Connect with us

ದಿನದ ಸುದ್ದಿ

ನ್ಯಾಯಮೂರ್ತಿ ಅರಳಿ ನಾಗರಾಜ್ ಸರ್ ರವರ ಚಿತ್ತ ಜಾಗೃತ ಭಾರತದತ್ತ..!

Published

on

  • ಕೆ.ಶ್ರೀಧರ್ (ಕೆ.ಸಿರಿ)

“ಸಮಾಜದ ಋಣ ತೀರಿಸಲು ಆದರ್ಶ ನಾಗರೀಕರಾಗೋಣ;” ಎಂಬ ಅದ್ಭುತ ಸಂದೇಶ ಸಾರುವ ವಿಶ್ರಾಂತ ನ್ಯಾಯಮೂರ್ತಿ ಅರಳಿ ನಾಗರಾಜ ಸರ್ ರವರು ಕಂಡ ಭವ್ಯ ಭಾರತದ ಕನಸು.

ನಿಜಕ್ಕೂ ನಮ್ಮಂತಹ ಯುವಕರನ್ನು ಕೂಡಾ ನಾಚಿಸುವಂತದ್ದು “ದೇಶದ ಚಿತ್ತ ಯುವಜನರತ್ತ” ಎಂಬ ಪುಸ್ತಕವನ್ನು ಶ್ರೀಯುತ ಅರಳಿ ನಾಗರಾಜ ಸರ್ ರವರು ದಿನಾಂಕ 21/08/20201 ರಂದು ನಮ್ಮ ಮನೆಗೆ ಬಂದಾಗ ಶುಭಾಶಯಗಳೊಂದಿಗೆ ನೀಡಿದ್ದರು ಪುಸ್ತಕದ ಶೀರ್ಷಿಕೆಯೇ ಹೇಳುವಂತೆ ದೇಶದ ಯುವ ಸಮುದಾಯಕ್ಕೆ ಸ್ಪಷ್ಟವಾದ ಸಂದೇಶ ನೀಡಿವ ಪುಸ್ತಕವಿದು.

ಯಶಸ್ಸಿನೆಡೆಗೆ ನಮ್ಮ ನಡಿಗೆ ಇಂದ ಆರಂಭವಾಗುವ ಈ ಪುಸ್ತಕ ನಮಗೆ ಆದರ್ಶ ಯಾರು? ಎಂಬ ಉಪ ಶೀರ್ಷಿಕೆಯೊಂದಿಗೆ ಮುಕ್ತಾಯವಾಗುತ್ತದೆ. ಬದುಕು ಎಂದರೆ ಬರಿ ಬದುಕುವುದಲ್ಲ ಸ್ಪಷ್ಟ ಗುರಿ, ಸಾಧಿಸುವ ಛಲ,ಕಠಿಣ ಪರಿಶ್ರಮ, ನಿರಂತರ ಅಭ್ಯಾಸ, ಅಚಲವಾದ ಆತ್ಮವಿಶ್ವಾಸ,ಸಮಯದ ಸಾರ್ಥಕ ಬಳಕೆ ಈ ಸಪ್ತ ಸೂತ್ರಗಳು ಮಾತ್ರ ಗೆಲುವು ತಂದುಕೊಡಲು ಸಾಧ್ಯ.

ಡಾ.ಎ.ಪಿ.ಜೆ ಅಬ್ದುಲ್ ಕಲಾಂ ರವರು ಹೇಳುವಂತೆ ಸೆಳೆತಗಳನ್ನು ಮೀರಿ ನಿಲ್ಲುವ ವ್ಯಕ್ತಿ ಮಾತ್ರ ಗುರಿಯನ್ನು ಸಾಧಿಸಬಲ್ಲ, ದೌರ್ಬಲ್ಯಗಳನ್ನು ಮೀರುವವರೆಗೂ ವ್ಯಕ್ತಿ ಪ್ರಬಲನಾಗುವುದಿಲ್ಲ. ಈ ಮಾತು ಅಕ್ಷರಶಃ ಸತ್ಯ ಯಾವುದೋ ಒಂದು ಸೆಳೆತಕ್ಕೆ ನಾವು ಒಳಗಾದರೆ ಬಂಧನಕ್ಕೊಳಗಾದಂತೆ.

ಪರಿಶ್ರಮ ಮೆಟ್ಟಿಲಿಂತೆ ಅದೃಷ್ಟ ಲಿಪ್ಟಿನಂತೆ ಲಿಫ್ಟ್ (ಅದೃಷ್ಟ) ಕೈಕೊಡಬಹುದು ಆದರೆ ಪರಿಶ್ರಮ (ಮೆಟ್ಟಿಲು) ಎಂದಿಗೂ ಕೈ ಕೊಡದು ತಾವು ಬದುಕಿದ ಆಧಾರದ ಮೇಲೆ ಶ್ರೀಯುತರು ಹೇಳಿದ್ದಾರೆ. ಬಸವಣ್ಣನವರ ವಚನಗಳ ಮೂಲಕ ಶರಣರ ತತ್ವಗಳನ್ನು ಪ್ರತಿಪಾದಿಸುವ ಮೂಲಕ ನಮ್ಮಲ್ಲಿರುವ ಸೋಮಾರಿತನವನ್ನು ಬಡಿದೆಬ್ಬಿಸುವಂತಿವೆ ಒಂದೊಂದು ಸಾಲುಗಳು.

ಯಶಸ್ಸಿನೆಡೆಗೆ ನಮ್ಮ ನಡಿಗೆ ಹಾಗೂ ವ್ಯಕ್ತಿತ್ವ ವಿಕಸನ ಮತ್ತು ಸಂವಹನ ಕೌಶಲ್ಯದಲ್ಲಿ ಸಕಾರಾತ್ಮಕ ಗುಣವಿಶೇಷಗಳು ಹಾಗೂ ನಕಾರಾತ್ಮಕ ಗುಣವಿಶೇಷಗಳು ಎರಡನ್ನೂ ತಮ್ಮದೇ ಆದ ದೃಷ್ಟಿಕೋನದಲ್ಲಿ ಚಿಂತಿಸಿದ ವಿವಿಧ ಮಜಲುಗಳನ್ನು ಓದುತ್ತಾ ಕುಳಿತರೆ ಶ್ರೀಯುತರ ಶಿಕ್ಷಣ ತಜ್ಞರಂತೆ ಕಾಣುತ್ತಾರೆ ನಿಜಕ್ಕೂ ಈ ಎಲ್ಲಾ ಅಂಶಗಳನ್ನು ನಾವು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಹಾಗೂ ಮಕ್ಕಳ ಮನಸ್ಸಿನಲ್ಲಿಇಂತಹ ಗುಣಗಳನ್ನು ಬಿತ್ತಬೇಕು.

ಮುಂದುವರೆದು ಹೇಳುತ್ತಾ ಬರಿ ಅಂಶಗಳಿದ್ದರೆ ಸಾಲದು ಸಂವಹನ ಕೌಶಲ್ಯವೂ ಮುಖ್ಯ. ಕರ್ನಾಟಕದ ಉಚ್ಛ ನ್ಯಾಯಾಲಯದ ನ್ಯಾಯಾಧೀಶರಾಗಿ 62 ವರ್ಷ ಪೂರ್ಣಗೊಂಡ ನಂತರ ನಿವೃತ್ತನಾಗಬೇಕಿತ್ತು ಆದರೆ 61 ವರ್ಷ ಮುಗಿಯಲು ಒಂದೆರಡು ತಿಂಗಳು ಇರುವಾಗಲೆ ಸ್ವಯಂ ನಿವೃತ್ತಿ ಪಡೆದು ಅಂದಿನಿಂದಲೇ ರಾಜ್ಯಾದ್ಯಂತ ಸ್ವಂತ ಖರ್ಚಿನಲ್ಲಿ (ನನ್ನ ನಿವೃತ್ತಿ ವೇತನದಲ್ಲಿ) ಸಂಚರಿಸುತ್ತಾ ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿ ಯುವಜನರೊಂದಿಗೆ ಸಂವಾದಿಸುತ್ತಾ “ಯುವ ಜನರ ಚಿತ್ತವನ್ನು ದೇಶದತ್ತ ಹೊರಳಿಸುವ ಪ್ರಯತ್ನದಲ್ಲಿದ್ದೇನೆಂದು” ಮೃತ್ಯು ನಮ್ಮನ್ನಪ್ಪುವ ಮೊದಲೆ ಸಮಾಜದ ಋಣ ತೀರಿಸಬೇಕು ಎಂದು ಬರೆದಿರುವ ಶ್ರೀಯುತರ ಸಾಲುಗಳೇ ಹೇಳುತ್ತವೆ.

ಇವರ ಮನದಲ್ಲಿ ಜಾಗೃತ ಭಾರತವನ್ನು ಕಟ್ಟುವ ಇಂಗಿತವನ್ನು ಇದು ಕೇವಲ ಬರಹಕ್ಕೆ ಸೀಮಿತವಾಗದೆ ಕಾಲಿಗೆ ಚಕ್ರ ಕಟ್ಟಿಕೊಂಡಂತೆ ನಾಡಿನಾದ್ಯಂತ ಸಂಚರಿಸಿ ತಮ್ಮ 70 ರ ಹರೆಯದಲ್ಲೂ ಸಮಾಜಮುಖಿ ಕಾರ್ಯ ನಿರ್ವಹಿಸುತ್ತಿರುವ ನಿಮಗೆ ಸಾವಿರದ ಶರಣು ಸರ್ ನಿವೃತ್ತಿಯಾಗುವವರೆಗೂ ಸಂಬಳ ಪಡೆದು ನಿವೃತ್ತಿ ವೇತನ ಪಡೆದು ಮೊಮ್ಮಕ್ಕಳ ಜೊತೆ ಕಾಲ ಕಳೆದು ಇಹಲೋಕ ತ್ಯಜಿಸುವವರ ಮಧ್ಯೆ ದೇಶದ ಯುವ ಸಮುದಾಯವನ್ನು ದೇಶಕಟ್ಟಬೇಕೆಂದು ಹುರಿದುಂಬಿಸುವ ಈ ಧೈರ್ಯ ಎಲ್ಲರಲ್ಲಿಯೂ ಬರುವುದಿಲ್ಲ.

ಇತ್ತೀಚಿನ ದಿನಗಳಲ್ಲಿ ರಾಜಕಾರಣ ಮತ್ತು ಧರ್ಮ ರಾಜಕಾರಣ ಬಲು ಮುನ್ನಲೆಯಲ್ಲಿರುವ ವಿಷಯಗಳಾಗಿದ್ದು ಶ್ರೀಯುತರು ನಮ್ಮನ್ನ ಸ್ವಾತಂತ್ರ್ಯ ಪೂರ್ವ ಭಾರತದ ಸ್ಥಿತಿ ಗತಿಗಳು ಸ್ವಾತಂತ್ರ್ಯಾನಂತರದ ಭಾರತದ ಪರಿಸ್ಥಿತಿಯ ಬಗ್ಗೆ ಕನ್ನಡಿ ಹಿಡಿದಂತಿದೆ.

ಹಿಂದೆ ರಾಜಪ್ರಭುತ್ವದಲ್ಲಿ “ಯಥಾ ತಥಾ ಪ್ರಜಾ” ಎಂಬ ವಾಡಿಕೆಯಿತ್ತು ಆದರೆ ಅರಳಿ ನಾಗರಾಜ ಸರ್ ರವರ ಕನಸ್ಸಿನ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ “ಯಥಾ ಮತದಾರ ತಥಾ ಜನ ಪ್ರತಿನಿಧಿ” ಅಂದರೆ “ಮತದಾರರಂತೆ ಜನಪ್ರತಿನಿಧಿಗಳು” ನಮಗೆ ಆದರ್ಶಪ್ರಾಯರಾದ ಜನಪ್ರತಿನಿಧಿಗಳು ನಾಯಕರು ಬೇಕೆಂದಾದಲ್ಲಿ ಮೊದಲು ನಾವು ಆದರ್ಶಪ್ರಾಯ ನಾಗರೀಕರಾಗಬೇಕು.

ಅದರಲ್ಲೂ ಗ್ರಾಮ, ತಾಲ್ಲೂಕು, ಜಿಲ್ಲಾ, ರಾಜ್ಯ, ರಾಷ್ಟ್ರ ಆಡಳಿತ ನಡೆಸುವ ನಮ್ಮ ಜನಪ್ರತಿನಿಧಿಗಳು ‘ಎಂಥವರಾಗಬೇಕು?’ ಎಂಬುದನ್ನು ನಿರ್ಧರಿಸುವ ಅಂಶ ನಿಂತಿರುವುದು _”ಮತದಾನದ ಮಾರಾಟದಿಂದಲ್ಲ ನಮ್ಮ ಮತವನ್ನು ಮೌಲ್ಯಯುತ ದೇಶಾಭಿಮಾನದ ರಾಜಕಾರಣಿಗೆ ದಾನ ಮಾಡುವುರ”_ ನಿಂತಿದೆ.

ಸ್ವಾತಂತ್ರ್ಯ ಬಂದು 75 ದಶಕಗಳೆ ಕಳೆದರೂ ಭ್ರಷ್ಟಾಚಾರ, ಜಾತೀಯತೆ, ಅಪರಾಧ, ಅನೈತಿಕತೆ ಮುಂತಾದ ಅಪಮೌಲ್ಯಗಳೇ ಮೌಲ್ಯಗಳಾಗಿ ವಿಜೃಂಭಿಸುತ್ತಿವೆ ಎಂದು ತುಂಬಾ ನೋವಿನಿಂದ ಹೇಳಿದ್ದಾರೆ. ಎಲ್ಲಾ ಹಂತದ ಚುನಾವಣೆಗಳಲ್ಲೂ ಹಣಬಲ,ತೋಳ್ಬಲ,ಜಾತಿ ಬಲ,ಅಧಿಕವಾಗುತ್ತಾ ಬಂದು ಜನಪ್ರತಿನಿಧಿಗಳಾಗಲು ಯಾವುದೇ ಅರ್ಹತೆಗಳು ಇಲ್ಲದವರು ಕಾಳಧನ ಸಂಪತ್ತು ಹೊಂದಿರುವವರು ಜಾತಿವಾದಿಗಳು ಅಪರಾಧದ ಹಿನ್ನೆಲೆ ಇರುವವರು ಚುನಾಯಿತರಾಗುತ್ತಿರುವುದಕ್ಕೆ ದೇಶದಲ್ಲಿ ನೈತಿಕತೆ ಅಧಃಪತನಕ್ಕೆ ಹೋಗಿದೆ ಎಂಬ ನೋವಿನ ಸಂಗತಿಯನ್ನು ನೊಂದುಕೊಂಡು ಪುಸ್ತಕದಲ್ಲಿ ಬರೆದಿದ್ದಾರೆ.

ದೇಶಪ್ರೇಮಿ ಮತ್ತು ದೇಶದ್ರೋಹಿ ಇವರಿಬ್ಬರ ನಡುವಿನ ವ್ಯತ್ಯಾಸವನ್ನು ವಿಜಯ ಮಲ್ಯ ರವರ ಪ್ರಕರಣದ ಮೂಲಕ ವಾಸ್ತವತೆಯ ಕದ ತಟ್ಟಿದ್ದಾರೆ ಶ್ರೀಯುತ ಅರಳಿ ನಾಗರಾಜ್ ಸರ್ ನಮ್ಮ ದೇಶದ ಬ್ಯಾಂಕುಗಳಿಂದ ಹತ್ತು ಸಾವಿರ ಕೋಟಿ ರೂಪಾಯಿಗಳಿಗೂ ಅಧಿಕ ಸಾಲ ಪಡೆದು ಮರುಪಾವತಿ ಮಾಡುಲಾಗದೆ ವಂಚಿಸಿ ವಿದೇಶಕ್ಕೆ ಹಾರಿಹೋಗಿ ಆ ವಿದೇಶಿ ನ್ಯಾಯಾಲಯದಲ್ಲಿ ಆತ “ನನ್ನನ್ನು ಭಾರತಕ್ಕೆ ಒಪ್ಪಿಸಬೇಡಿ ಅಲ್ಲಿ ನನ್ನನ್ನು ಸುರಕ್ಷಿತವಾಗಿ ಇರಿಸುವ ಜೈಲು ಇಲ್ಲ” ಎಂಬುದಾಗಿ ಹೇಳಿಕೆ ಕೊಟ್ಟಂತಹ ಆ ವಿಜಯ ಮಲ್ಯ ಶ್ರೀಮತ ಉದ್ಯಮಿಯನ್ನು ನಮ್ಮ ಕರ್ನಾಟಕದ ಶಾಸಕರು ನಮ್ಮ ರಾಷ್ಟ್ರದ ಸಂಸತ್ತಿನ “ಹಿರಿಯರ ಮನೆ” ಆಗಿರುವ ರಾಜ್ಯಸಭೆಯ ಸದಸ್ಯನನ್ನಾಗಿ ಆರಿಸಿ ಕಳಿಸಿದ್ದರು.

ಆತನಲ್ಲಿ ವಾಮಮಾರ್ಗದಿಂದ ಸಂಪಾದಿಸಿದ ಸಂಪತ್ತು ಬಿಟ್ಟರೆ ಹೇಳಿಕೊಳ್ಳುವಂತಹ ಯಾವ ನೈತಿಕತೆ ಅವರಲ್ಲಿರಲಿಲ್ಲ. ಜವಾಬ್ದಾರಿ ಸ್ಥಾನಕ್ಕೆ ಜವಾಬ್ದಾರಿಕೆ ಹೊಂದಿದ್ದ ಶಾಸಕರಿಂದ ಆಯ್ಕೆಯಾದ ವ್ಯಕ್ತಿ ‘ದೇಶದ್ರೋಹಿ’ ಆಗುತ್ತಾನೆಂದರೆ ಇದು ನಮ್ಮ ದೇಶದ ದುರ್ದೈವ ಮತ್ತು ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಯ ಅಪಹಾಸ್ಯ,ಅಣಕ ಎಂದು ಬಹು ನೋವಿನಿಂದ ನಮ್ಮ ನಿವೃತ್ತ ನ್ಯಾಯಮೂರ್ತಿಗಳು ಬರೆದಿದ್ದಾರೆ.

ತಮಗೆ ಹಕ್ಕಿಲ್ಲದಿದ್ದರೂ ಪಾಂಡವರ ಸಮಸ್ತ ರಾಜ್ಯಕ್ಕೂ ತಾನೇ ಒಡೆಯನಾಗಬೇಕೆಂಬ ದುರ್ವ್ಯಸನ ದುರ್ಯೋಧನಿಗೆ ಇದ್ದರೆ ದ್ಯೂತ (ಜೂಜು) ಆಡುವ ದುರ್ವ್ಯಸನ ಧರ್ಮರಾಯನಿಗೆ ಇದ್ದುದ್ದರಿಂದ ‘ಕುರುಕ್ಷೇತ್ರ’ ನಡೆಯಿತು‌.

ತಮ್ಮದೇಯಾದ ಕಾರಣಗಳಿಗಾಗಿ ದುರ್ಯೋಧನನಿಗೆ ಋಣಿಯಾದ್ದರಿಂದ ಭೀಷ್ಮ,ದ್ರೋಣರು,ಕೃಪಚಾರ್ಯರು, ಅಶ್ವತ್ಥಾಮ,ಕರ್ಣ ಅಧರ್ಮದ ಪರವಾಗಿ ಧರ್ಮದ ವಿರುದ್ಧವಾಗಿ ಕುರುಕ್ಷೇತ್ರ ಯುದ್ದದಲ್ಲಿ ಪಾಲ್ಗೊಂಡಿದ್ದರು ನಮ್ಮ ದೇಶದಲ್ಲಿ ಪ್ರಸ್ತುತ ರಾಜಕಾರಣದಲ್ಲೂ ನಡೆಯುತ್ತಿರುವುದು ಇದೇ ಎಂದು ಇಂಥವರೂ ಯುವಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂಬ ಆತಂಕವನ್ನು ಕುರುಕ್ಷೇತ್ರದ ಮೂಲಕ ವ್ಯಕ್ತಪಡಿಸಿದ್ದಾರೆ.

ಪ್ರಸ್ತುತ ರಾಜಕಾರಣದಲ್ಲಿ ರಾಜಕಾರಣಿಗಳಲ್ಲಿರುವ ಆಂಗ್ಲ ಭಾಷೆಯ ಮೂರು C ಗಳು ಅಂದರೆ 1-corruption
2-casteism
3crime

ಇವುಗಳನ್ನು ಬಿಟ್ಟು ಐದು C ಸೂತ್ರ ನೀಡಿದ್ದಾರೆ ನಮ್ಮ ನಿವೃತ್ತ ನ್ಯಾಯಮೂರ್ತಿಗಳು.
1-competency
2-charactesr
3-commitment
4-courage
5-compassion

ಈ ಐದು ಅಂಶಗಳು ಪ್ರಸ್ತುತ ರಾಜಕಾರಣದಲ್ಲಿ ಈ ಪುಸ್ತಕದ ಲೇಖಕರು ಹೇಳುವ ಹಾಗೆ ಹಗಲು ಹೊತ್ತಿನಲ್ಲಿ ಹೆಗಲ ಮೇಲೆ ದೀಪವಿಡಿದು ನೋಡಿದರೆ ಒಬ್ಬರೂ ಸಿಗುವುದಿಲ್ಲ.

ಒಬ್ಬ ಪೊಲೀಸ್ ಪೇದೆಯಾಗಲು ಕನಿಷ್ಠ ವಿದ್ಯಾರ್ಹತೆ ಬೇಕು, ದೈಹಿಕ ಸಾಮರ್ಥ್ಯ ಬೇಕು ಆದರೆ ಇಂಥ ಪೇದೇಯಾಗಲು ಅರ್ಹತೆ ಇಲ್ಲವೆಂದು ತಿರಸ್ಕೃತಗೊಂಡ ವ್ಯಕ್ತಿ ಚುನಾವಣೆಯಲ್ಲಿ ಆಯ್ಕೆಯಾಗಿ ಪೊಲೀಸ್ ಇಲಾಖೆಯನ್ನು ತನ್ನ ಹತೋಟಿಯಲ್ಲಿ ಇಟ್ಟುಕೊಳ್ಳುವ ‘ಗೃಹಮಂತ್ರಿ’ ಆಗಬಹುದು ಬರೆಯುತ್ತಾ ಹೋದರೆ ಇಂಥವರ ಪಟ್ಟಿ ಜಾಸ್ತಿಯಾಗುತ್ತದೆ ‘ಆಗಬಹುದು’ ಅಂದರೆ ಇಲ್ಲಿಯವರೆಗೆ ಆಗಿಲ್ಲ’ ಎಂದರ್ಥವಲ್ಲ ವ್ಯಕ್ತಿಗಳ ವಿವರಣೆ ಅಗತ್ಯವಿಲ್ಲ ಎಂದು ಹೇಳುವಲ್ಲಿ ಎಂತಹಾ ಕರಾಳ ಸತ್ಯ ಅಪಮೌಲ್ಯದ ವಿಜೃಂಭಣೆ ಇದೆ ಎಂದು ಓದುಗರು + ಭ್ರಷ್ಟ ಮತದಾರ ಪ್ರಭುಗಳಾದ ನಾವುಗಳು ಅರಿತುಕೊಳ್ಳಬೇಕು.

68 ವರ್ಷಗಳನ್ನು ಪೂರೈಸಿರುವ ನ್ಯಾಯಮೂರ್ತಿಗಳು ವಯಸ್ಕರಾಗಲು ಬೇಕಿದ್ದ 18 ವರ್ಷಗಳನ್ನು ಅದರಲ್ಲೇ ಕಳೆದರೆ “ನನ್ನ ದೇಶದ ದೇಶದ ಆಗು ಹೋಗುಗಳ ಸಂಬಂಧದ ನನ್ನ ಅನುಭವಕ್ಕೆ 50 ವರ್ಷಗಳ ವಯಸ್ಸಾಗಿದೆ” ಅಭಿವೃದ್ಧಿಯ ಮೌಲ್ಯಗಳಿಗಿಂತ ಅಪಮೌಲ್ಯಗಳೇ ಹೆಚ್ಚಿನ ವೇಗದಿಂದ ವೃದ್ದಿಯಾಗುತ್ತಾ ಬಂದಿದೆ ಎಂದು ಹೇಳುವಲ್ಲಿ ರಾಜಕೀಯ ಭ್ರಷ್ಟಾಚಾರ ಅನೈತಿಕತೆಯ ಕ್ರೂರತೆಯನ್ನು ತಮ್ಮ ಮನದ ನೋವನ್ನು ಈ ಪುಸ್ತಕದಲ್ಲಿ ಶ್ರೀಯುತ ನಿವೃತ್ತ ನ್ಯಾಯಮೂರ್ತಿಗಳು ವ್ಯಕ್ತಪಡಿಸಿದ್ದಾರೆ.

ಇಂತಹ ನೋವುಗಳನ್ನು ಹೇಳುತ್ತಲೆ ಲಾಲಾ ಲಜಪತ್ ರಾಯ್, ಬಾಲಗಂಗಾಧರ ತಿಲಕ್,ಬಿಪಿನ್ ಚಂದ್ರಪಾಲ್,ದಾದಾಬಾಯಿ ನವರೋಜಿ,ಮದನಮೋಹನ ಮಾಲವೀಯ, ಗೋಪಾಲಕೃಷ್ಣ ಗೋಖಲೆ, ಶ್ರಿ ಅರವಿಂದರು, ಮಹಾತ್ಮ ಗಾಂಧೀಜಿ,ಸರೋಜಿನಿ ನಾಯ್ಡು, ಗೋವಿಂದ ವಲ್ಲಭ ಪಂತ್, ಲಾಲ್ ಬಹದ್ದೂರ್ ಶಾಸ್ತ್ರಿ ವೀರ ಸಾವಕರ, ಸುಭಾಷ್ ಚಂದ್ರ ಬೋಸ್, ಚಂದ್ರಶೇಖರ ಅಜಾದ್, ಹುತಾತ್ಮ ಭಗತ್ ಸಿಂಗ್, ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರಂತವರು ಯುವ ಜನತೆಗೆ ಆದರ್ಶರಾಗಬೇಕೆಂದು “ದೇಶದ ಚಿತ್ತ ಯುವಜನರತ್ತ ಎಂಬ ಪುಸ್ತಕದ ಮೂಲಕ ಜಾಗೃತ ಭಾರತಕ್ಕೆ ಕರೆ ನೀಡಿ ಅವಿರತವಾಗಿ ಶ್ರಮಿಸುತ್ತಿರುವ ನಿವೃತ್ತ ನ್ಯಾಯಮೂರ್ತಿಗಳಾದ ಅರಳಿ ನಾಗರಾಜ ಸರ್ ರವರ ಈ ಕಾರ್ಯವನ್ನು ಸರ್ಕಾರವು ಪರಿಗಣಿಸಿ ಒಂದು ಜಾಗೃತ ಭಾರತಕ್ಕೆ ಶ್ರೀಯುತ ನಿವೃತ್ತ ನ್ಯಾಯಮೂರ್ತಿಗಳಾದ ಅರಳಿ ನಾಗರಾಜ್ ಸರ್ ರವರ ಕನಸ್ಸನ್ನು ಸಾಕಾರಗೊಳಿಸಲು ಗಮನಹರಿಸಬೇಕು ನಮ್ಮಂತಹ ಯುವ ಸಮುದಾಯ ಈ ಪುಸ್ತಕವನ್ನು ಓದಿದರೆ ದೇಶದ ಆಡಳಿತ ವ್ಯವಸ್ಥೆಯಲ್ಲಿ ಗಣನೀಯ ಬದಲಾವಣೆಯಾಗಿ ಯುವ ಜನತೆಯ ಚಿತ್ತ ಸದಾ ದೇಶತ್ತ ಸೆಳೆಯಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ

ಆತ್ಮಕತೆ | ಕೃಷ್ಣಪ್ಪನವರ ನಿಧನ : (09.06.1938 – 30.04.1997)

Published

on

~ ರುದ್ರಪ್ಪ ಹನಗವಾಡಿ

ದ್ರಾವತಿಯಿಂದ ಬೆಂಗಳೂರಿಗೆ ಬಂದ ಕೃಷ್ಣಪ್ಪನವರು ಬಹುಜನ ಸಮಾಜ ಪಕ್ಷದ ಕೆಲಸ ನಿರ್ವಹಿಸುತ್ತಿದ್ದರೂ ಅವರ ರಕ್ತಮಾಂಸ ಬಸಿದು ಕಟ್ಟಿದ ಮೂಲಸಂಘಟನೆ ಡಿಎಸ್‌ಎಸ್ ಹಲವು ಗುಂಪುಗಳಾಗಿ ಒಬ್ಬರಿಗೊಬ್ಬರು ಅನುಮಾನಗಳಿಂದ ದೂರದೂರವಾಗಿದ್ದರು. ಇವರ ಜೊತೆ ಆತ್ಮೀಯ ಹೋರಾಟಗಾರರಾಗಿದ್ದ ಅನೇಕರು ಮಾತಿಲ್ಲದೆ ಅವರವರೇ ಕೊರಗುತ್ತಿದ್ದರು.

ಶಿವಮೊಗ್ಗ ಭದ್ರಾವತಿಯಲ್ಲಿ ಕೃಷ್ಣಪ್ಪನವರಿಗೆ ಎಲ್ಲಾ ಜಾತಿಯ, ಸಾಹಿತ್ಯ ಮತ್ತು ಸಾಂಸ್ಕೃತಿಕ ನಾಯಕರ ಬೆಂಬಲ, ಡಿಎಸ್‌ಎಸ್ ನ ಎಲ್ಲ ಹೋರಾಟಗಾರರಿಗೂ ಸಿಗುತ್ತಿತ್ತು. ಬೆಂಗಳೂರಿಗೆ ಬಂದ ನಂತರ ಆದ ಬೆಳವಣಿಗೆಗಳ ಬಗ್ಗೆ ಒಂದು ರೀತಿಯ ವಿಷಾದ ತುಂಬಿದ ಭಾವ ಕೃಷ್ಣಪ್ಪನವರಲ್ಲಿ ತುಂಬಿತ್ತು. ಆದರೂ ಅವರು ಮತ್ತೆ ಇದನ್ನು ಪುನಶ್ಚೇತನಗೊಳಿಸುವ ಕರ‍್ಯದಲ್ಲಿ ಹಗಲು ರಾತ್ರಿ ರಾಜ್ಯದ ವಿವಿಧೆಡೆಗೆ ಪ್ರಯಾಣ ಮಾಡುತ್ತ ವಿವಿಧ ಜಿಲ್ಲೆಗಳಿಗೆ ಹೋಗಿ ಡಿಎಸ್ ಎಸ್ ಸಂಘಟನೆಯ ಕರ‍್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದರು. ಅವರು ಡಿಎಸ್‌ಎಸ್ ಸಂಘಟನೆಯಲ್ಲಿನ ಬೆಳವಣಿಗೆಗಳ ಬಗ್ಗೆ ಮಾಡಿದ ನಿರಾಶಾ ಕಾಲದಲ್ಲಿಯೇ ಛಲಬಿಡದ ವಿಕ್ರಮನಂತೆ ದಲಿತರನ್ನೆಲ್ಲ ಪುನಃ ಸಂಘಟಿಸಿ ಪುನಶ್ಚೇತನ ಗೊಳಿಸುವ ಬಗ್ಗೆ ಅವರ ಸಹಪಾಠಿ ಆರ್. ನಾಗರಾಜ್, ಅರ್ಕೇಶ್ ಮತ್ತು ನಾನು ಅವರ ಮನೆಯಲ್ಲಿ ಸೇರಿದಾಗ ಚರ್ಚಿಸುತ್ತಿದ್ದರು. ಮೈಸೂರಿನ ಮಹಾದೇವ ಬೆಂಗಳೂರಿನ ಸಿದ್ಧಲಿಂಗಯ್ಯ ಇವರುಗಳ ಸಂಬಂಧ ಬಹಳ ದೂರ ಸರಿದಿತ್ತು. ಅದನ್ನು ಪುನಃ ಪುನಶ್ಚೇತನಗೊಳಿಸುವುದಕ್ಕೆ ಬೇಕಾದ ಶ್ರಮ ಹಾಕಲು ಮಹಾದೇವನಿಗಾಗಲೀ, ಸಿದ್ಧಲಿಂಗಯ್ಯನಿಗಾಗಲೀ ಇರಲಿಲ್ಲ. ಹಾಗಾಗಿ ಮತ್ತೆ ಏಕಾಂಗಿಯಾಗಿಯೇ ಎಲ್ಲಾಕಡೆ ಇವರೊಬ್ಬರೇ ತಿರುಗಾಡಿ ಸಂಘಟಿಸಲು ಶ್ರಮಿಸುತ್ತಿದ್ದರು.

ಈ ಯೋಜನೆಯ ಭಾಗವಾಗಿ ಆಯೋಜಿಸಿದ್ದ ಅಂಬೇಡ್ಕರ್ ರ‍್ಯಾಲಿಯಲ್ಲಿ ಭಾಗವಹಿಸಲು, ಗದಗ ಜಿಲ್ಲಾ ಕೇಂದ್ರದಲ್ಲಿ ವ್ಯವಸ್ಥೆಗೊಳಿಸಿದ ಸಭೆಗೆ ಹೋಗಿದ್ದರು. ನಾನು ಯಲಹಂಕ ಆಫೀಸಿನ ಕೆಲಸ ಮುಗಿಸಿ ಮಧ್ಯಾಹ್ನ ಊಟಕ್ಕೆ ಅವರ ಮನೆಗೆ ಹೋದಾಗ ಮೇಷ್ಟರು ಗದಗ್‌ಗೆ ಹೋದ ಸುದ್ದಿ ತಿಳಿದಿತ್ತು. ಗದಗ್‌ನಲ್ಲಿ ಕೃಷ್ಣಪ್ಪನವರ ತಂಗಿಯ ಮಗಳು ಮೈತ್ರ‍್ರಾ ಕೂಡಾ ಇದ್ದುದು, ಮೈತ್ರಾಳ ಗಂಡ ಬ್ಯಾಂಕ್‌ವೊಂದರಲ್ಲಿ ಉದ್ಯೋಗಿಯಾಗಿದ್ದು, ಸಂಘಟನೆಯ ಜೊತೆ ಅವರನ್ನೆಲ್ಲಾ ನೋಡಿಕೊಂಡು ಬರುವರೆಂದು ಮಾತಾಡಿಕೊಂಡು ನಾನು ಮಧ್ಯಾಹ್ನ ಊಟ ಮುಗಿಸಿಕೊಂಡು ಮತ್ತೆ ಆಫೀಸಿಗೆ ಹೋಗಿದ್ದೆ. ಆದರೆ ಸಂಜೆ 5ರ ವೇಳೆಗೆ ಕೃಷ್ಣಪ್ಪನವರು ಗದಗ್‌ನಲ್ಲಿ ಹುಷಾರಿಲ್ಲದೆ ಆಸ್ಪತ್ರೆಯಲ್ಲಿರುವುದಾಗಿಯೂ ಗದಗ್‌ನಿಂದ ಫೋನ್ ಬಂದಿರುವುದಾಗಿಯೂ ನನ್ನ ಆಫೀಸಿಗೆ ಮಗಳು ಶಾಲಿನಿ ಫೋನ್ ಮಾಡಿದ್ದಳು. ಇಂದಿರಾ ಆಫೀಸ್ ಮುಗಿಸಿ ಮನೆಗೆ ಬರುವ ವೇಳೆಗೆ ನನ್ನ ಹೆಂಡತಿ ಗಾಯತ್ರಿಗೂ ಫೋನ್ ಮಾಡಿ ತಿಳಿಸಿದೆ. ಅರ್ಜೆಂಟಾಗಿ ನಾವು ಎಲ್ಲರೂ ಗದಗ್‌ಗೆ ಹೋಗಿ ಮೇಷ್ಟçರನ್ನ ಕರೆದುಕೊಂಡು ಬಂದು ಇಲ್ಲಿಯೇ ಶುಶ್ರೂಷೆ ಕೊಡಿಸುವ ಎಂದು ಮಾತಾಡಿಕೊಂಡು ರಾತ್ರಿಯೇ ಬೆಂಗಳೂರಿನಿಂದ ಹೊರಟು ಮಧ್ಯೆ ರಾತ್ರಿ ನಮ್ಮೂರ ಬಳಿ ನಿಂತು ನಮ್ಮ ಊರಿನವರಿಗೂ ವಿಷಯ ತಿಳಿಸಿ ಬೆಳಿಗ್ಗೆ 7 ಘಂಟೆಗೆ ಗದಗ ತಲುಪಿದೆವು.

ಬೆಂಗಳೂರು ಬಿಟ್ಟು ಹೊರಟಾಗ ಅವರ ಆರೋಗ್ಯದಲ್ಲಿನ ಸಮಸ್ಯೆ ಸ್ಪಷ್ಟವಾಗಿ ಏನೆಂದು ತಿಳಿಯದಿದ್ದರೂ-ಅವರ ಬಿಡುವಿಲ್ಲದ ತಿರುಗಾಟಕ್ಕೆ ತಡೆಹಾಕಿ ಆರೋಗ್ಯದ ಕಡೆ ಗಮನ ನೀಡಲು ಏನೆಲ್ಲ ಕ್ರಮ ಜರುಗಿಸಬೇಕೆಂದು ನನ್ನ ಹೆಂಡತಿ ಗಾಯತ್ರಿ ಇಂದಿರಾಗೆ ಸಲಹೆ ನೀಡುತ್ತಿದ್ದಳು. ಕೃಷ್ಣಪ್ಪನವರ ಆರೋಗ್ಯ ಕೆಡಿಸುವಂತಹ ಅಭ್ಯಾಸಗಳು ಅವರಿಗೆ ಮೊದಲಿನಿಂದಲೂ ಇರಲಿಲ್ಲ. ಡಿಎಸ್‌ಎಸ್‌ನ ಸಮಾವೇಶಗಳಲ್ಲೂ ಕೂಡ ಎಲ್ಲರಿಗೂ ಸ್ವಚ್ಛತೆ, ವ್ಯಾಯಾಮ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸಲು ಪ್ರಭಾವಿಸುತ್ತಿದ್ದರು. ಕೊಳಕುತನ, ಸೋಮಾರಿತನ ಬಾಲ್ಯದಿಂದಲೂ ಕೃಷ್ಣಪ್ಪನವರ ಬಳಿ ಸುಳಿದಿರಲಿಲ್ಲ. ಊಟ ಉಪಚಾರಗಳಲ್ಲೂ ಶಿಸ್ತುಬದ್ದರಾಗಿದ್ದು ಅವರಿಗೆ ಅನಾರೋಗ್ಯ ಎಂಬ ಮಾತು ಕೇಳಿರಲಿಲ್ಲ. ಈ ಕಾರಣದಿಂದ ಏನಾದರೂ ಆಗಿರಲಿ ಬಂದ ನಂತರ ಅವರನ್ನು ಹೆಚ್ಚು ತಿರುಗಾಡಲು ಬಿಡಬಾರದೆಂಬ ತೀರ್ಮಾನ ಮಾಡಿಕೊಂಡು ನಾವೆಲ್ಲ ಗದಗ್ ಕಡೆ ಹೊರಟಿದ್ದೆವು.

ಹೋದಾಕ್ಷಣ ಅವರನ್ನು ಐಸಿಯುನಲ್ಲಿ ನಾವು ಮೂವರೂ ಹೋಗಿ ನೋಡಿದೆವು. ಕಣ್ಣು ಬಿಟ್ಟು ನೋಡಿದ್ದನ್ನು ಬಿಟ್ಟರೆ ಬೇರೇನೂ ಮಾತಾಡಲಿಲ್ಲ. ಇಂತಹ ಪರಿಸ್ಥಿತಿಯನ್ನು ನಾವ್ಯಾರು ನಿರೀಕ್ಷಿಸಿರಲಿಲ್ಲ. ದಾರಿಯುದ್ದಕ್ಕೂ ಯೋಚಿಸಿಕೊಂಡು ಬಂದದ್ದಕ್ಕೂ ಇಲ್ಲಿನ ಪರಿಸ್ಥಿತಿ ನೋಡಿ ನಾವೆಲ್ಲಾ ಗರಬಡಿದಂತಾಗಿ ಕೂತಿದ್ದೆವು. ಗಾಯತ್ರಿ, ಇಂದಿರಾ ಮಾತಾಡದೆ ಉಸಿರಾಡುತ್ತಿದ್ದರು. ಮತ್ತೆ 10-15 ನಿಮಿಷಗಳಲ್ಲಿ ಪರಿಸ್ಥಿತಿ ಹದಗೆಡುತ್ತಿದೆ ಎಂದು ವಾರ್ಡ್ ಬಾಯ್ ಹೇಳಿದಾಗ ನಾವೆಲ್ಲ ಒಳಗೆ ಹೋದೆವು. ಬಂದ ಡಾಕ್ಟರ್ ನಮ್ಮನ್ನೆಲ್ಲ ಮತ್ತೆ ಹೊರಹೋಗಲು ಹೇಳಿ ಶುಶ್ರೂಷೆ ಮಾಡುತ್ತಿದ್ದರು. ಏನಾಯಿತು, ಹೇಗಾಯಿತು ಎಂದು ನಾವುಗಳೆಲ್ಲ ಸಾವರಿಸಿಕೊಳ್ಳುತ್ತಿರುವಾಗಲೇ ಮೇಷ್ಟರು ಕೊನೆಯುಸಿರೆಳೆದಿದ್ದರು. ಅಂದು ದಿನಾಂಕ 30-4-1997 ಬೆಳಗಿನ 8.30 ಇರಬಹುದು. ನಾವು ಬಂದು ನೋಡಿ ನಂತರ ಫ್ರೆಶ್ ಆಗಿ ನಂತರ ಏನು ಮಾಡುವುದು ಎಂದು ಯೋಚಿಸುವ ಮುನ್ನ ಇದೆಲ್ಲ ಆಗಿ ಹೋಗಿತ್ತು.

ಈಚೆ ಬಂದ ನನಗೆ ಸಾವನ್ನ ಹೀಗೆ ನೇರವಾಗಿ ಎದುರಿಸಿದ ಸಂದರ್ಭಗಳು ಇರಲಿಲ್ಲ. ಮುಂದಿನ ವಿಚಾರವನ್ನು ಯೋಚನೆ ಮಾಡುತ್ತಲೇ ಹತ್ತಿರದಲ್ಲಿದ್ದ ಟೆಲಿಫೋನ್ ಬೂತ್‌ನಿಂದ ಮೈಸೂರಿನಲ್ಲಿದ್ದ ಮಗಳು ಸೀಮಾ ಮತ್ತು ಬೆಂಗಳೂರಿನಲ್ಲಿದ್ದ ಶಾಲುಗೆ ಹಾಗೂ ಬೆಂಗಳೂರಿನ ವಿಧಾನಸೌಧದಲ್ಲಿ ಪಿಎಸ್ ಆಗಿದ್ದ ಬಸವಣ್ಯಪ್ಪನಿಗೆ ತಿಳಿಸಿ ಎಲ್ಲಾ ಡಿಎಸ್‌ಎಸ್ ಸ್ನೇಹಿತರಿಗೆ ತಿಳಿಸಲು ಹೇಳಿದೆ. ಹರಿಹರದಲ್ಲಿನ ಮೇಷ್ಟರ ತಮ್ಮಂದಿರಿಗೆ ಸುದ್ದಿ ತಿಳಿಸಿ ಬಂದೆ. ಸಿರಸಿಯಲ್ಲಿದ್ದ ಮೇಷ್ಟರ ಇನ್ನೊಬ್ಬ ತಮ್ಮ ಮಾರುತಿಗೆ ತಿಳಿಸಿ ಮೇಷ್ಟರ ಪಾರ್ಥಿವ ಶರೀರವನ್ನು ಹರಿಹರಕ್ಕೆ ತೆಗೆದುಕೊಂಡು ಹೋಗುವ ಬಗ್ಗೆ ವ್ಯವಸ್ಥೆ ಮಾಡಿದೆ. ಆಸ್ಪತ್ರೆಯ ರೀತಿನೀತಿಗಳನ್ನು ಮುಗಿಸಿ-ಸಮಾಧಿಯಾಗುವುದು ಇನ್ನೂ ಒಂದು ದಿನ ತಡವಾಗುವುದರಿಂದ ದೇಹಕ್ಕೆ ಬೇಕಾದ ರೀತಿಯಲ್ಲಿ ಇಂಜೆಕ್ಷನ್ ಕೊಡಿಸಿ ಸುಮಾರು 3-4 ಗಂಟೆಗೆ ಗದಗ ಬಿಟ್ಟು ಹರಿಹರ ಟೌನ್‌ನಲ್ಲಿದ್ದ ಮೇಷ್ಟರ ಮನೆಗೆ ಸಂಜೆ 7 ಗಂಟೆಯ ಸಮಯಕ್ಕೆ ತಲುಪಿದ್ದೆವು.

ರಾತ್ರಿ ಭಜನೆ ಮಾಡಲು ವ್ಯವಸ್ಥೆ ಮಾಡಿ ನಂತರ ಮೇಷ್ಟರ ಸಂಸ್ಕಾರ ಎಲ್ಲಿ ಏನು ಎಂದು ಅವರ ತಮ್ಮಂದಿರು ತಂಗಿಯರ ಜೊತೆ ಮಾತಾಡಿದಾಗ ಅದೆಲ್ಲ ತುಂಗಭದ್ರಾ ನದಿಯ ದಡದಲ್ಲಿ ಮಾಡುವುದು ಎಂದು ತಿಳಿಸಿದರು. ಈ ಬಗ್ಗೆ ದುಃಖದಲ್ಲಿ ಮುಳುಗಿದ್ದ ಇಂದಿರಾ ಜೊತೆ ಏನೂ ಮಾತಾಡುವ ಸ್ಥಿತಿಯಲ್ಲಿರಲಿಲ್ಲ. ಇದೇ ಚಿಂತೆಯಲ್ಲಿ ನಾನು ಮೂರು ಕಿ.ಮೀ. ದೂರದ ನಮ್ಮ ಊರಿಗೆ ಬಂದಿಳಿದೆ. ರಾತ್ರಿಯಲ್ಲಿ ನಿದ್ದೆ ಬಾರದೆ ಒದ್ದಾಡಿದೆ. ಹರಿಹರ ತುಂಗಾ ನದಿ ದಡದಲ್ಲಿ ಸಂಸ್ಕಾರ ಮಾಡುವ ಅವರ ನಿರ್ಧಾರವನ್ನು ತಿಳಿದು ಮನಸ್ಸಿಗೆ ಒಂದು ಚಿಂತೆಯಾಯಿತು. ಇಷ್ಟೊಂದು ಹೋರಾಟದ ಜೀವನ ನಡೆಸಿದ ಮನುಷ್ಯನ ನೆನಪು ನಾಳೆಗೆ ಭೌತಿಕವಾಗಿ ಕೊನೆಯಾಗುವ ಬಗ್ಗೆ ಚಿಂತೆಯಾಯಿತು. ನಾನು ನಮ್ಮ ಅಣ್ಣ ಅವ್ವ ಇವರ ಜೊತೆ ಚರ್ಚಿಸಿ-ನಮ್ಮ ತೋಟದ ಜಮೀನಿನಲ್ಲಿ ಸಮಾಧಿ ಮಾಡಿದರೆ ಹೇಗೆ ಎಂದು ಯೋಚಿಸಿ, ಬೆಳಿಗ್ಗೆ ಈ ನನ್ನ ಯೋಚನೆಯನ್ನು ಮೇಷ್ಟರ ತಮ್ಮ ಮಾರುತಿ ಬಳಿ ಚರ್ಚಿಸಿ ನಂತರ ಎಲ್ಲ ಅವರ ಸಂಬಂಧಿಗಳಿಗೂ ವಿಚಾರಿಸಿದೆ. ಅವರೆಲ್ಲರೂ ನನ್ನ ಸಲಹೆಗೆ ಒಪ್ಪಿದರು. ಅದರಂತೆ ಎಲ್ಲಾ ಡಿಎಸ್‌ಎಸ್‌ನ ಕರ‍್ಯಕರ್ತರಿಗೆ, ಅಧ್ಯಾಪಕರಿಗೆ, ರಾಜಕಾರಣಿಗಳಿಗೆ ತಿಳಿಸಿದೆವು. ಹರಿಹರದಿಂದ ನಮ್ಮೂರಿನಿಂದಲೇ ತರಿಸಿದ್ದ ಟ್ರಾಕ್ಟರ್‌ನಲ್ಲಿ ನಮ್ಮ ತೋಟದಲ್ಲಿ ಸುಮಾರು 4 ಗಂಟೆಯ ಸಮಯಕ್ಕೆ 1-5-1997ರಂದು ಕೃಷ್ಣಪ್ಪನವರ ಅಂತಿಮ ಕಾರ್ಯವನ್ನು ಮಾಡಿದೆವು. ಅಂತಿಮ ದರ್ಶನ ಪಡೆಯಲು ರಾಜ್ಯದಾದ್ಯಂತ ಪ್ರಗತಿಪರರು, ಡಿಎಸ್‌ಎಸ್ ಕರ‍್ಯಕರ್ತರು, ರಾಜಕಾರಣಿಗಳ ದಂಡೇ ಆಗಮಿಸಿತ್ತು. ಸಮಾಧಿಯಾದ ನಂತರ ಡಿಎಸ್‌ಎಸ್‌ನ ಎಲ್ಲಾ ಬಣಗಳ ಕರ‍್ಯಕರ್ತರೂ ಕೃಷ್ಣಪ್ಪನವರ ಹೋರಾಟದ ಆಶಯಗಳನ್ನು ಈಡೇರಿಸಲು ಅಂದು ಪ್ರಮಾಣ ಮಾಡುವ ಪ್ರತಿಜ್ಞೆ ಮಾಡಿ ನಿರ್ಗಮಿಸಿದ್ದರು.

1997ರಲ್ಲಿ ಕೃಷ್ಣಪ್ಪನವರ ನಿರ್ಗಮನದ ನಂತರ ಕರ್ನಾಟಕದ ದಲಿತ ಹೋರಾಟದ ಸಮಗ್ರ ಚಿತ್ರಣ ಹಲವು ಟಿಸಿಲುಗಳಾಗಿ ಹೊರಹೊಮ್ಮಿದ್ದವು. ನನ್ನ ಸರ್ಕಾರಿ ನೌಕರಿಯ ಜೊತೆ ಎಲ್ಲ ಬಣಗಳಲ್ಲಿ ನನಗೆ ಬಲ್ಲವರಿದ್ದರೂ ಯಾರೊಡನೆ ಒಡನಾಡುವುದು ಎಂಬ ಪ್ರಶ್ನೆ ಮೂಡುತ್ತಿತ್ತು. ಆದರೂ ಯಾರು ಏನೇ ಕರ‍್ಯಕ್ರಮ ಮಾಡುವಾಗ ಸಹಕಾರ ನೀಡಲು ಕೋರಿದರೆ ಮುಕ್ತ ಮನಸ್ಸಿನಿಂದ ಸಹಾಯ ಮಾಡುತ್ತಿದ್ದೆ.

ಕೃಷ್ಣಪ್ಪನವರ ನಿಧನಾನಂತರ ಬಿಎಸ್‌ಪಿಯ ರಾಷ್ಟ್ರೀಯ ಅಧ್ಯಕ್ಷರಾಗಿದ್ದ ಕಾನ್ಷಿರಾಮ್ ಅವರು ಯಲಹಂಕದಲ್ಲಿದ್ದ ಕೃಷ್ಣಪ್ಪನವರ ಮನಗೆ ಬಂದು ಇಂದಿರಾ ಮತ್ತು ಅವರ ಇಬ್ಬರು ಮಕ್ಕಳು ಶಾಲಿನಿ, ಸೀಮಾ ಅವರಿಗೆ ಸಾಂತ್ವನ ಹೇಳಿದರು. ತಕ್ಷಣದ ಅಗತ್ಯಗಳಿಗೆ ಎಂಬ ಕಾರಣದಿಂದಲೋ ಏನೋ ಎರಡು ಲಕ್ಷ ರೂಪಾಯಿಗಳನ್ನು ಇಂದಿರಾ ಅವರ ಕುಟುಂಬಕ್ಕೆ ನೀಡಿದ್ದರು. ಆದರೆ ಇಂದಿರಾ ಅವರು ನನಗೀಗ ಸರ್ಕಾರಿ ನೌಕರಿ ಇರುವ ಕಾರಣ ನೀಡಿ, ಅದನ್ನು ಕೃಷ್ಣಪ್ಪನವರ ಹೆಸರಿನಲ್ಲಿ ಮುಂದೆ ಸ್ಥಾಪಿಸಿದ ಟ್ರಸ್ಟ್ನ ಹೆಸರಿನಲ್ಲಿ ನಡೆಸುವ ಕರ‍್ಯಕ್ರಮಗಳಿಗೆ ಬಳಸಿಕೊಳ್ಳಲಾಗುವುದು ಎಂದು ಹೇಳಿ ಆ ಹಣವನ್ನು ಒಪ್ಪಿಕೊಂಡಿದ್ದರು. ಅದರಂತೆ ಕಾನ್ಷಿರಾಮ್ ಅವರು ನೀಡಿದ ಹಣ, 1997ರಲ್ಲಿ ಸ್ಥಾಪಿಸಿದ ಪ್ರೊ.ಬಿ. ಕೃಷ್ಣಪ್ಪ ಟ್ರಸ್ಟ್ನಲ್ಲಿ ಮೂಲಧನವಾಗಿ ಉಳಿದಿದೆ. ಕೃಷ್ಣಪ್ಪನವರ ಆಶಯದಂತೆ ಕರ‍್ಯಕ್ರಮಗಳನ್ನು ನಿರ್ವಹಿಸಿಕೊಂಡು ಕಳೆದ 24 ವರ್ಷಗಳಿಂದ ಬರುತ್ತಿದ್ದೇವೆ.

ಕೃಷ್ಣಪ್ಪನವರು ಕಾಲವಾದ ಎರಡು ತಿಂಗಳಲ್ಲಿ ಡಿಎಸ್‌ಎಸ್‌ನ ಅವರ ಅನುಯಾಯಿಗಳಲ್ಲಿ ನಾನು ಮತ್ತು ಇಂದಿರಾ ಮನವಿ ಮಾಡಿ ಕೃಷ್ಣಪ್ಪನವರ ಹೆಸರಿನಲ್ಲಿ ಟ್ರಸ್ಟ್ ಸ್ಥಾಪಿಸುವ ಬಗ್ಗೆ ಬೆಂಗಳೂರಿನಲ್ಲಿ ಪೂರ್ವಭಾವಿ ಸಭೆಯನ್ನು ಅರ್ಕೇಶ್ ಇದ್ದ ಸಿಆರ್‌ಪಿಎಫ್‌ನಲ್ಲಿನ ಒಂದು ಸಭಾಂಗಣದಲ್ಲಿ ಕರೆದಿದ್ದೆವು. ಆ ಸಭೆಗೆ ಸಾಕಷ್ಟು ಜನ ಬಾರದಿದ್ದರಿಂದ ಮತ್ತೊಂದು ಬಾರಿ ಎಲ್ಲರಿಗೂ ತಿಳಿಹೇಳಿ 9 ಅಥವಾ 11 ಜನರಿರುವ ಒಂದು ಟ್ರಸ್ಟ್ ಸ್ಥಾಪಿಸುವ ಬಗ್ಗೆ ಮತ್ತೆ ಸಭೆ ಕರೆದೆವು. ಎರಡನೇ ಸಭೆಯಲ್ಲಿ ಬಂದವರ ಅಭಿಪ್ರಾಯ ಪಡೆದು 11 ಜನರಲ್ಲಿ ದಲಿತ ಹೋರಾಟಗಾರರು, ಕೃಷ್ಣಪ್ಪನವರ ಕುಟುಂಬ ಮತ್ತು ಅವರ ಸಹಪಾಠಿಗಳನ್ನು ಸೇರಿದಂತೆ ಟ್ರಸ್ಟ್ ಸದಸ್ಯರ ಹೆಸರುಗಳನ್ನು ಅಂತಿಮಗೊಳಿಸಿದೆವು.

ನಾನು ಮತ್ತು ಇಂದಿರಾ ಮ್ಯಾನೇಜಿಂಗ್ ಟ್ರಸ್ಟಿಗಳು. ಕೃಷ್ಣಪ್ಪನವರ ಸಹಪಾಠಿಗಳಾಗಿದ್ದ ಆರ್. ನಾಗರಾಜ್ ಮತ್ತು ಕೃಷ್ಣಪ್ಪನವರ ಕಿರಿಯ ಸಹೋದರ ಬಿ. ಮಾರುತಿ, ನಮ್ಮ ಸಹೋದರ ಸಿ. ತಿಪ್ಪಣ್ಣ ಮತ್ತು ಉಳಿದಂತೆ ಡಿಎಸ್‌ಎಸ್‌ನಲ್ಲ್ಲಿದ್ದ ಕೃಷ್ಣಪ್ಪನವರ ಅನುಯಾಯಿಗಳಾದ ಚಿತ್ರದುರ್ಗದ ಜಯಣ್ಣ, ಶ್ರೀಧರ ಕಲಿವೀರ, ಮಾವಳ್ಳಿ ಶಂಕರ್, ಬಿಎಸ್‌ಪಿಯಲ್ಲಿದ್ದ ಮಾರಸಂದ್ರದ ಮುನಿಯಪ್ಪನವರ ಹೆಸರುಗಳನ್ನು ಅಂತಿಮಗೊಳಿಸಿದ್ದೆವು. ಎರಡು ಬಾರಿ ಎಲ್ಲರೂ ಸೇರಿ ನೋಂದಾಯಿಸಲು ಸಬ್ ರಿಜಿಸ್ಟಾçರ್ ಆಫೀಸಿಗೆ ಬರುವಂತೆ ದಿನಾಂಕ ನಿಗದಿ ಮಾಡಿದ್ದರೂ ಕೆಲವರು ಕೊನೆಯವರೆಗೂ ಬಾರದ ಕಾರಣ ಬಂದವರಲ್ಲಿ ಏಳು ಜನರಿರುವ ಟ್ರಸ್ಟ್ವೊಂದನ್ನು ದಿನಾಂಕ 28-11-97ರಲ್ಲಿ ಸ್ಥಾಪಿಸಿದೆವು. ಕೃಷ್ಣಪ್ಪನವರ ಆಶಯಗಳನ್ನು ಟ್ರಸ್ಟಿನ ಧ್ಯೇಯೋದ್ದೇಶಗಳಲ್ಲಿ ಉಲ್ಲೇಖಿಸಿ ನೊಂದಾಯಿಸಿದೆವು. ಅಂದಿನಿಂದ ಇಂದಿನವರೆಗೆ ಸುಮಾರು 24 ವರ್ಷಗಳಲ್ಲಿ ರಾಜ್ಯದಾದ್ಯಂತ ದಲಿತ ಹೋರಾಟಗಳಿಗೆ ಒತ್ತಾಸೆಯಾಗಿ, ಸಮಾನತೆ ಸಹೋದರತೆ ಸಾರುವ ಮಾನವೀಯ ಹೋರಾಟಗಳಲ್ಲಿ ಭಾಗವಹಿಸುತ್ತಾ, ಅಂತರ್ಜಾತಿ-ಅಂತರ್‌ಮತೀಯ ಮತ್ತು ಸರಳ ಮದುವೆಗಳನ್ನು ಮಾಡುತ್ತಾ ಜೊತೆಗೆ, ಕೃಷ್ಣಪ್ಪನವರು ಬರೆದಿದ್ದ ಹೋರಾಟದ ಕವನ ಮತ್ತು ವೈಚಾರಿಕ ಲೇಖನಗಳನ್ನು ಪ್ರಕಟಿಸಿ ಜನರಿಗೆ ತಲುಪಿಸುತ್ತಾ ಇಂದಿಗೂ ಜನಪರ ಚಳುವಳಿಗಳಲ್ಲಿ ಕೃಷ್ಣಪ್ಪ ಟ್ರಸ್ಟ್ ಸಕ್ರಿಯವಾಗಿದೆ. ಟ್ರಸ್ಟ್ನ ಕರ‍್ಯಕ್ರಮಗಳ ಭಾಗವಾದ ಕೃಷ್ಣಪ್ಪ ಸಮಾಧಿ ಸ್ಥಳ ಉದ್ಘಾಟನೆಗೆ ಬಿಎಸ್‌ಪಿಯ ಕಾನ್ಷಿರಾಮ್ ಅವರು ಹಿರಿಯ ನ್ಯಾಯವಾದಿ ಮತ್ತು ಮಾಜಿಮಂತ್ರಿಗಳಾಗಿದ್ದ ಎಲ್.ಜಿ. ಹಾವನೂರ ಅವರು, ಮಾಜಿಮಂತ್ರಿಗಳಾಗಿದ್ದ ಕಾಗೋಡು ತಿಮ್ಮಪ್ಪ ಅವರು 1997ರಲ್ಲಿ ಬಂದು ಉದ್ಘಾಟಿಸಿದ್ದರು. ಅಂದಿನಿಂದ ಇಂದಿನವರೆಗೆ ನೂರಾರು ಸಾಹಿತ್ಯ, ಸಂಸ್ಕೃತಿ, ನಾಟಕ, ಹೋರಾಟಗಳ ಸಭೆ ಸಮಾರಂಭಗಳನ್ನು ಕೃಷ್ಣಪ್ಪ ಸಮಾಧಿ ಸ್ಥಳದಲ್ಲಿ ಸಂಘಟಿಸುತ್ತಾ ಬಂದಿದೆ. ಮಂತ್ರಿಗಳು, ಮುಖ್ಯಮಂತ್ರಿಗಳು, ರಾಜ್ಯಪಾಲರಾದಿಯಾಗಿ ಜೊತೆಗೆ ನೂರಾರು ದಲಿತ ಹೋರಾಟಗಾರರು, ರಾಜಕಾರಣಿಗಳು ಅನೇಕ ಪ್ರಗತಿಪರರು, ರೈತ ಹೋರಾಟಗಾರರು ಗ್ರಾಮೀಣ ಜನರು ಸಮಾಧಿ ಸ್ಥಳದಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿರುತ್ತಾರೆ.

2017ರಲ್ಲಿ ಸಮಾಧಿ ಸ್ಥಳದಲ್ಲಿ ಸರ್ಕಾರದ ಸಹಾಯದಿಂದ ಕೃಷ್ಣಪ್ಪ ಸ್ಮಾರಕ ಭವನ ನಿರ್ಮಿಸಿದ್ದು, ಅಲ್ಲಿ ಲೈಬ್ರರಿ ಮತ್ತು ಸ್ಮರಣಲೋಕವನ್ನು ಕೃಷ್ಣಪ್ಪನವರ ಹೋರಾಟದ ವಿವರಗಳನ್ನು ಒಳಗೊಂಡಂತೆ ಕಲೆ ಹಾಕಿದೆ. ಅನೇಕ ಪ್ರಗತಿಪರ ಕರ‍್ಯಕ್ರಮಗಳು ಜನಪರ ಗ್ರಾಮೀಣ ಜನರು ಅದರ ಸದುಪಯೋಗ ಪಡೆಯುತ್ತಿರುವುದು ಸಂತೋಷದ ಸಂಗತಿಯಾಗಿದೆ.

ಕೃಷ್ಣಪ್ಪನವರು ತೀರಿದ ಎರಡು ತಿಂಗಳಲ್ಲಿ ಯಲಹಂಕದಲ್ಲಿನ ಪ್ರಗತಿಪರರೊಡನೆ ಜೊತೆಗೂಡಿ ಕೃಷ್ಣಪ್ಪನವರ ಸ್ಮರಣ ಕರ‍್ಯಕ್ರಮ ಆಯೋಜಿಸಿದ್ದೆವು. ಆ ಸಭೆಗೆ ನಮ್ಮ ನಗರಸಭೆಯ ಸದಸ್ಯರು ಮತ್ತು ಅನೇಕ ಪ್ರಗತಿಪರರು ಕೈಜೋಡಿಸಿದ್ದರು. ಸಭೆಗೆ ಡಿಎಸ್‌ಎಸ್ ನಾಯಕರು ಮತ್ತು ಅಂದಿನ ವಿಧಾನಸಭಾ ಅಧ್ಯಕ್ಷರಾಗಿದ್ದ ಡಿ. ಮಂಜುನಾಥ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಕೃಷ್ಣಪ್ಪನವರ ಹೋರಾಟ ಮತ್ತು ತ್ಯಾಗಗಳ ಬಗ್ಗೆ ನುಡಿನಮನ ಸಲ್ಲಿಸಿದ್ದರು.

ನಮ್ಮ ಊರಿನಿಂದ ಒಂದು ದೊಡ್ಡ ದಂಡೇ ಬ್ಯಾಂಡ್‌ಸೆಟ್ ಜೊತೆಗೆ ಬಂದಿದ್ದರು. ಈ ಸಂದರ್ಭದಲ್ಲಿ ಬಸವಲಿಂಗಪ್ಪನವರ ಸಮಾಧಿ ಸ್ಥಳದಿಂದ ಯಲಹಂಕದಲ್ಲಿ ನಡೆಸುತ್ತಿದ್ದ ಕೃಷ್ಣಪ್ಪನವರ ಸ್ಮರಣ ಸಮಾರಂಭದವರೆಗೆ ಮೆರವಣಿಗೆ ಮಾಡಿಕೊಂಡು ಬಂದು ಕೃಷ್ಣಪ್ಪನವರ ಬದುಕು, ಹೋರಾಟ, ಡಿಎಸ್‌ಎಸ್ ಸಂಘಟನೆಯನ್ನು ಸ್ಥಾಪಿಸಿ ಹೋರಾಟ ಮಾಡಿದ ವಿವಿಧ ವಿಷಯಗಳ ಬಗ್ಗೆ ಅಂದಿನ ಸಭೆಯಲ್ಲಿ ಭಾಗವಹಿಸಿದವರೆಲ್ಲರೂ ಮಾತನಾಡಿ ಕೃಷ್ಣಪ್ಪನವರ ಅಗಲಿಕೆಗೆ ಸಂತಾಪ ವ್ಯಕ್ತಪಡಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ, ಗಿಗ್, ಸಿನಿ ಹಾಗೂ ಮನೆಗೆಲಸ ಕಾರ್ಮಿಕರ ಕಲ್ಯಾಣಕ್ಕಾಗಿ ಅಧಿನಿಯಮ ಜಾರಿಗೆ ಕ್ರಮ : ಸಚಿವ ಸಂತೋಷ್ ಲಾಡ್

Published

on

ಸುದ್ದಿದಿನ,ದಾವಣಗೆರೆ:ದೇಶದಲ್ಲೇ ಪ್ರಥಮ ಬಾರಿಗೆ ಕರ್ನಾಟಕ ರಾಜ್ಯ ಸರ್ಕಾರ ಇ-ಕಾಮರ್ಸ್ ಫ್ಲಾಟ್ ಫಾರ್ಮ್ ಆಧಾರಿತ ಗಿಗ್ ಕಾರ್ಮಿಕರು, ಸಿನಿಮಾ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ದುಡಿಯುತ್ತಿರುವ ಕಲಾ ಕಾರ್ಮಿಕರು ಹಾಗೂ ಮನೆಗೆಲಸದಲ್ಲಿ ತೊಡಗಿರುವ ಗೃಹ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸಲು ಪ್ರತ್ಯೇಕ ಅಧಿನಿಯಮಗಳನ್ನು ರೂಪಿಸಿದೆ. ಮುಂಬರುವ ದಿನಗಳಲ್ಲಿ ಸದನದಲ್ಲಿ ಈ ಅಧಿಸೂಚನೆಗಳನ್ನು ಮಂಡಿಸಿ, ಅನುಮೋದನೆ ಪಡೆದು, ಕಾಯ್ದೆಗಳನ್ನಾಗಿ ಜಾರಿ ಮಾಡುವುದಾಗಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದರು.

ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕ ಸಾಮಾಜಿಕ ಭದ್ರತಾ ಮಂಡಳಿ, ಸಾರಿಗೆ ಇಲಾಖೆ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಶನಿವಾರ ನಗರದ ದೊಡ್ಡಬೂದಿಹಾಳ್ ರಸ್ತೆಯ ತಾಜ್ ಪ್ಯಾಲೇಸ್ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾದ ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಹಾಗೂ ವಿವಿಧ ಯೋಜನೆಗಳ ಕುರಿತು ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯ ಸರ್ಕಾರ ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಶ್ರಮಿಸುತ್ತಿದೆ. ಈಗಾಗಲೇ ಇ-ಕಾಮರ್ಸ್ ವಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗಿಗ್ ಕಾರ್ಮಿಕರಿಗೆ ವಿಮಾ ಯೋಜನೆ ಜಾರಿಗೊಳಿಸಲಾಗಿದೆ. ಗಿಗ್ ಕಾರ್ಮಿಕರನ್ನು ನೋಂದಾಯಿಸಿ, ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಲು ಹಾಗೂ ಸಂಪನ್ಮೂಲ ಕ್ರೂಢೀಕರಣಕ್ಕಾಗಿ ‘ಕರ್ನಾಟಕ ಫ್ಲಾಟ್ ಫಾರ್ಮ್ ಆಧಾರಿತ ಗಿಗ್ ಕಾರ್ಮಿಕ ಅಧಿನಿಯಮ-2025’ ಜಾರಿ ಮಾಡಲಾಗುವುದು. ರಾಜ್ಯದಲ್ಲಿ ವರ್ಷಕ್ಕೆ ಸುಮಾರು 4 ಕೋಟಿ ಸಿನಿಮಾ ಟಿಕೆಟ್‌ಗಳು ಮಾರಾಟವಾಗುತ್ತವೆ.

ಈ ಟಿಕೆಟ್‌ಗಳ ಮೇಲೆ ಸೆಸ್ ವಿಧಿಸುವ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚೆಸಲಾಗುತ್ತಿದೆ. ಇದಕ್ಕಾಗಿ ‘ಕರ್ನಾಟಕ ಸಿನಿಮಾ ಮತ್ತು ಚಟುವಟಿಕೆಗಳಲ್ಲಿ ತೊಡಗಿದ ಕಾರ್ಮಿಕರ ಸುಂಕ ಅಧಿನಿಯಮ-2024’ ಅನ್ನು ರಚಿಸಲಾಗಿದೆ. ಇದರೊಂದಿಗೆ ಮನೆಗೆಲಸ ನಿರ್ವಹಿಸುತ್ತಿರುವ ಕಾರ್ಮಿಕರ ಕಲ್ಯಾಣಕ್ಕಾಗಿ ‘ಕರ್ನಾಟಕ ಗೃಹ ಕಾರ್ಮಿಕರ ಅಧಿನಿಯಮ-2025’ ರಚಿಸಲಾಗಿದೆ. ಈ ಎಲ್ಲಾ ಅಧಿನಿಯಮಗಳ ನಿಯಾವಳಿಗಳನ್ನು ರೂಪಿಸುವ ಪ್ರಕ್ರಿಯೆ ಚಾಲನೆಯಲ್ಲಿದೆ. ಈ ಅಧಿನಿಯಮಗಳನ್ನು ಸದನದಲ್ಲಿ ಮಂಡಿಸಿ, ಅನುಮೋದನೆ ಪಡೆದು, ಕಾಯ್ದೆ ಜಾರಿಗೊಳಿಸಲಾಗುವುದು ಎಂದು ಸಚಿವ ಸಂತೋಷ್ ಲಾಡ್ ತಿಳಿಸಿದರು.

ಗ್ಯಾರಂಟಿ ಯೋಜನೆಗಳಿಗೆ 5 ವರ್ಷದಲ್ಲಿ 3 ಲಕ್ಷ ಕೋಟಿ ಖರ್ಚು

ರಾಜ್ಯದಲ್ಲಿ ಜಾರಿಗೊಳಿಸಲಾಗಿರುವ ಪಂಚ ಗ್ಯಾರಂಟಿ ಯೋಜನೆಗಳಿಗೆ ಪ್ರತಿ ವರ್ಷ 56 ರಿಂದ 60 ಸಾವಿರ ಕೋಟಿ ರೂ. ವೆಚ್ಚವಾಗುತ್ತಿದೆ. ಈ ಮೊತ್ತ 5 ವರ್ಷಗಳಲ್ಲಿ 3 ಲಕ್ಷ ಕೋಟಿ ರೂ. ತಲುಪಬಹುದು. ದೇಶದ ಯಾವುದೇ ರಾಜ್ಯದಲ್ಲಿ ಇಷ್ಟೊಂದು ಮೊತ್ತದ ಹಣವನ್ನು ನೇರವಾಗಿ ಜನರ ಕಲ್ಯಾಣಕ್ಕಾಗಿ ವ್ಯಯಿಸುತ್ತಿಲ್ಲ. ರಾಜ್ಯದಲ್ಲಿ 30 ರಿಂದ 40 ಲಕ್ಷ ಅಸಂಘಟಿತ ಕಾರ್ಮಿಕರು ಇದ್ದು, ಕಾರ್ಮಿಕ ಇಲಾಖೆ 91 ವಿವಿಧ ಅಸಂಘಟಿತ ವರ್ಗಗಳ ಕಾರ್ಮಿಕರನ್ನು ಗುರುತಿಸಿದೆ. ಅಸಂಘಟಿತ ಕಾರ್ಮಿಕರನ್ನು ಉಚಿತವಾಗಿ ನೋಂದಾಯಿಸಿಕೊಂಡು ಸ್ಮಾರ್ಟ್ ಕಾರ್ಡ್ ನೀಡಲಾಗುತ್ತಿದೆ. ಇದಕ್ಕಾಗಿ ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ ಜಾರಿ ಮಾಡಲಾಗಿದೆ. ಇದುವರೆಗೂ ರಾಜ್ಯದಲ್ಲಿ 25,45,607 ಕಾರ್ಮಿಕರು, ದಾವಣಗೆರೆ ಜಿಲ್ಲೆಯಲ್ಲಿ 89,493 ಕಾರ್ಮಿಕರು ನೊಂದಣಿಯಾಗಿದ್ದಾರೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಹೇಳಿದರು.

ಮೋಟಾರು ಸಾರಿಗೆ ಹಾಗೂ ಇತರೆ ಸಂಬಂಧಿಸಿದ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ಮಂಡಳಿಯ ಮೂಲಕ, ಚಾಲಕರು, ನಿರ್ವಾಹಕ, ಕ್ಲೀನರ್, ನಿಲ್ದಾಣ ಸಿಬ್ಬಂದಿ, ಮಾರ್ಗ ಪರಿಶೀಲನಾ ಸಿಬ್ಬಂದಿ, ಬುಕಿಂಗ್, ನಗದು, ಡಿಪೋ ಗುಮಾಸ್ತರು ಸೇರಿದಂತೆ, ಮೋಟಾರು ಕ್ಷೇತ್ರದಲ್ಲಿ ದುಡಿಯತ್ತಿರುವ ಎಲ್ಲಾ ಕಾರ್ಮಿಕರಿಗೆ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿ ಮಾಡಲಾಗುತ್ತಿದೆ ಎಂದರು.

ಖಾಸಗಿ ವಲಯದ ಉದ್ಯೋಗಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳುವ ಉದ್ದೇಶಿತ ದೃಷ್ಠಿಯಿಂದ ‘ಆಶಾದೀಪ’ ಯೋಜನೆಯನ್ನು ರಾಜ್ಯ ಸರ್ಕಾರ ಜಾರಿಗೊಳಿಸಿದೆ. ಈ ಯೋಜನೆಯಡಿ ಉದ್ಯೋಗದಾತ ಮಾಲಿಕರು ಪಾವತಿಸಿದ ಇ.ಎಸ್.ಐ ಮತ್ತು ಇ.ಪಿ.ಎಫ್ ವಂತಿಕೆ ಮರುಪಾವತಿ, ತರಬೇತಿ ನೇಮಿಸಿಕೊಂಡ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳ ಶಿಷ್ಯವೇತನ ಮರುಪಾವತಿ, ಹೊಸ ನೇಮಕಾತಿಗೊಂಡವರಿಗೆ ಪಾವತಿಸಿದ ವೇತನದ ಎರಡು ವರ್ಷಗಳ ಅವಧಿಗೆ ಪ್ರತಿ ಉದ್ಯೋಗಿಯ ಮಾಸಿಕ ತಲಾ 6000 ರೂ. ವೇತನವನ್ನು ಉದ್ಯೋಗದಾತರಿಗೆ ಮರುಪಾವತಿ ಮಾಡಲಾಗುವುದು ಎಂದು ಸಚಿವ ಸಂತೋಷ ಎಸ್. ಲಾಡ್ ತಿಳಿಸಿದರು.

ಸರ್ಕಾರದಿಂದ ಖಾಸಗಿ ಕಂಪನಿಗಳು ನೀಡುವ ಇ.ಪಿ.ಎಫ್‌ಗಳನ್ನು ಪ್ರತ್ಯೇಕವಾಗಿ ಬ್ಯಾಂಕ್ ಖಾತೆಗಳನ್ನು ತೆರದು ನಿರ್ವಹಣೆ ಮಾಡುವಂತೆ ನಿಯಮ ರೂಪಿಸಲಾಗಿದೆ. ಉದ್ಯೋಗಿ, ಕಂಪನಿ ತೊರೆದ ಸಂದರ್ಭದಲ್ಲಿ ಈ ಹಣ ನೇರವಾಗಿ ಉದ್ಯೋಗಿಯ ಬ್ಯಾಂಕ್ ಖಾತೆಗೆ ಜಮೆಯಾಗಲಿದೆ. ಇದರಿಂದ ಕಾರ್ಮಿಕರಿಗೆ ಸಾಕಷ್ಟು ಅನುಕೂಲವಾಗಲಿದೆ ಎಂದು ಹೇಳಿದರು.

ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಮಾತನಾಡಿ, ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್ ಅವರು ಜಿಲ್ಲೆಯಲ್ಲಿ ಅರ್ಹ ಅಸಂಘಟಿತ ಕಾರ್ಮಿಕರನ್ನು ಗುರತಿಸಿ ಸ್ಮಾರ್ಟ್ಕಾರ್ಡ್ ವಿತರಿಸಲಾಗುತ್ತಿದೆ. ಸರ್ಕಾರದ ಯೋಜನೆ, ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ಜನರಿಗೆ ಯೋಜನೆ ಮತ್ತು ಸೌಲಭ್ಯಗಳನ್ನು ಸಮಪರ್ಕವಾಗಿ ಮುಟ್ಟಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಶ್ಲಾಘಿಸಿದರು.

ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಮಾತನಾಡಿ, ಕಾರ್ಮಿಕ ಇಲಾಖೆಯಿಂದ ಬಡವರ, ಕಾರ್ಮಿಕ ವರ್ಗದವರ ಕಷ್ಟಗಳ ಬಗ್ಗೆ ಅರಿತಿರುವ ಸಚಿವ ಸಂತೋಷ್ ಲಾಡ್ ಅವರು, ಅನೇಕ ಜನಕಲ್ಯಾಣ ಯೋಜನೆಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಕಾರ್ಮಿಕ ಇಲಾಖೆ ಮೂಲಕ ಅರ್ಹ ಫಲಾನುಭವಿಗಳಿಗೆ ತಲುಪಿಸುತ್ತಿದ್ದಾರೆ. ಈ ಹಿಂದೆ ಕಾರ್ಮಿಕ ಇಲಾಖೆಯಲ್ಲಿ ಮಾತ್ರ ಕಾರ್ಮಿಕ ದಿನಾಚರಣೆಯನ್ನು ಆಚರಿಸಲಾಗುತ್ತಿತ್ತು. ಆದರೆ ಸಚಿವ ಲಾಡ್ ಅವರಿಂದ ಪ್ರಸ್ತುತ ಮೇ 01ರಂದು ಎಲ್ಲಾ ಇಲಾಖೆ ಹಾಗೂ ಸರ್ಕಾರಿ ಕಚೇರಿಗಳು ಸೇರಿದಂತೆ ವಿವಿಧ ಸಂಸ್ಥೆಗಳಲ್ಲಿಯೂ ಆಚರಿಸಲಾಗುತ್ತದೆ ಎಂದರು.

ವಿವಿಧ ಸೌಲಭ್ಯಗಳ ವಿತರಣೆ

ಕಾರ್ಯಕ್ರಮದಲ್ಲಿ ಅಪಘಾತದಿಂದ ಮರಣ ಹೊಂದಿದ ಖಾಸಗಿ ವಾಣಿಜ್ಯ ಚಾಲಕರ ಅವಲಂಬಿತ ಮಹಿಳೆ ಜಗಳೂರಿನ ಗೌರಮ್ಮನವರಿಗೆ ರೂ.5 ಲಕ್ಷ ಪರಿಹಾರ ಧನ, ಅಪಘಾತದಿಂದ ಮರಣ ಹೊಂದಿದ ಖಾಸಗಿ ವಾಣಿಜ್ಯ ವಾಹನ ಚಾಲಕರ ಮಕ್ಕಳಿಗೆ ರೂ.10,000 ಶೈಕ್ಷಣಿಕ ಧನಸಹಾಯದ ಚೆಕ್ ಹಾಗೂ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡುಗಳನ್ನು ವಿತರಿಸಲಾಯಿತು.

ಕಾರ್ಮಿಕ ಆಯುಕ್ತ ಡಾ.ಎಚ್.ಎನ್. ಗೋಪಾಲಕೃಷ್ಣ ಸಂವಿಧಾನ ಪೀಠಿಕೆ ಬೋಧಿಸಿದರು. ಉಪ ಕಾರ್ಮಿಕ ಆಯುಕ್ತ ಡಾ.ವೆಂಕಟೇಶ್ ಶಿಂದಿಹಟ್ಟಿ ಸ್ವಾಗತಿಸಿದರು. ಜಂಟಿ ಕಾರ್ಮಿಕ ಆಯುಕ್ತ ಡಾ. ಎಸ್.ಬಿ. ರವಿಕುಮಾರ್ ಪ್ರಸ್ತಾವಿಕವಾಗಿ ಮಾತನಾಡಿದರು. ಚೇತನ್ ಹಾಗೂ ಸಂಡಿಗರ ಕಲಾತಂಡ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು.

ಹೊನ್ನಾಳಿ ಶಾಸಕ ಡಿ.ಜಿ.ಶಾಂತನೌಡ, ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ದಿನೇಶ್ ಕೆ ಶೆಟ್ಟಿ, ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ, ಜಿ.ಪಂ.ಸಿಇಓ ಗಿತ್ತೆ ಮಾಧವ ವಿಠಲ ರಾವ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ದಿನದ ಸುದ್ದಿ

ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ 9360 ಪ್ರಕರಣ ಇತ್ಯರ್ಥ ; ವಿಚ್ಚೇದನ ಕೋರಿ ಸಲ್ಲಿಸಿದ್ದ 23 ಜೋಡಿ ವೈವಾಹಿಕ ಜೀವನ ಸುಖಾಂತ್ಯ

Published

on

ಸುದ್ದಿದಿನ,ದಾವಣಗೆರೆ:ಜಿಲ್ಲೆಯಾದ್ಯಂತ ಎಲ್ಲಾ ನ್ಯಾಯಾಲಯಗಳಲ್ಲಿ ಜುಲೈ 12 ರಂದು ರಾಷ್ಟ್ರೀಯ ಲೋಕ್ ಅದಾಲತ್‌ನ್ನು ಹಮ್ಮಿಕೊಳ್ಳಲಾಗಿತ್ತು. ವಿವಿಧ ಪ್ರಕರಣಗಳ 18024 ಕೈಗೆತ್ತಿಕೊಂಡಿದ್ದು, ಅದರಲ್ಲಿ ಒಟ್ಟು 9,360 ಜಾರಿಯಲ್ಲಿರುವ ಪ್ರಕರಣಗಳು ಮುಕ್ತಾಯಗೊಂಡು, ರೂ.14,33,66,571 ಹಣದ ಪ್ರಕರಣ ಹಾಗೂ ವ್ಯಾಜ್ಯ ಪೂರ್ವ 2,62,712 ಪ್ರಕರಣಗಳು ಮುಕ್ತಾಯಗೊಂಡು ರೂ.72,62,10,788 ಹಣದ ಪರಿಹಾರವಾಗಿ ರಾಜಿ ಸಂಧಾನದ ಮೂಲಕ ಇತ್ಯರ್ಥಗೊಳಿಸಲಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಮಹಾವೀರ ಮ. ಕರೆಣ್ಣವರ ತಿಳಿಸಿದ್ದಾರೆ.

ಜಿಲ್ಲೆಯ ನ್ಯಾಯಾಲಯಗಳಲ್ಲಿ 77 ಅಪರಾಧಿಕ, 195 ಚೆಕ್ ಅಮಾನ್ಯ, 43 ಬ್ಯಾಂಕ್ ವಸೂಲಾತಿ, 14 ಇತರೆ ಹಣ ವಸೂಲಾತಿ, 74 ಅಪಘಾತ ಪರಿಹಾರ, 144 ವಿದ್ಯುತ್ ಕಳ್ಳತನ, 02 ಅಕ್ರಮ ಮರಳು ಗಣಿಗಾರಿಕೆ, 51 ಪಾಲು ವಿಭಾಗಕ್ಕಾಗಿ ದಾಖಲಿಸಿದ ದಾವೆ, 26 ಭೂ ಸ್ವಾಧೀನ ಪರಿಹಾರ ಜಾರಿ ಅರ್ಜಿ, 132 ಇತರೆ ರಾಜಿ ಅರ್ಜಿ ಹಾಗೂ ಹಲವು ಕಾರಣಕ್ಕಾಗಿ ದಾಖಲಿಸಿದ 88 ದಾವೆಗಳು ಮತ್ತು ಜೀವನಾಂಶ ಕೋರಿ ದಾಖಲಿಸಿದ್ದ 50 ಪ್ರಕರಣಗಳು ಸೇರಿ ಒಟ್ಟು 9360 ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದೆ.

23 ಜೋಡಿ ವೈವಾಹಿಕ ಜೀವನ ಸುಖಾಂತ್ಯ

ಜಿಲ್ಲೆಯಲ್ಲಿ ಒಟ್ಟು 225 ಜೋಡಿ ವಿವಿಧ ಕಾರಣಗಳಿಂದ ವಿಚ್ಛೇದನ ಮತ್ತು ಜೀವನಾಂಶಕ್ಕಾಗಿ ಪ್ರಕರಣ ದಾಖಲಿಸಿ ನ್ಯಾಯಾಲಯ ಮೆಟ್ಟಿಲೇರಿದ್ದು, ಅದರಲ್ಲಿ 20 ಪ್ರಕರಣ ದಾವಣಗೆರೆ ಜಿಲ್ಲಾ ಕೌಟುಂಬಿಕ ನ್ಯಾಯಾಲಯ ಹಾಗೂ ಹರಿಹರ, ಚನ್ನಗಿರಿ ಹಾಗೂ ಹೊನ್ನಾಳಿ ತಾಲ್ಲೂಕು ನ್ಯಾಯಾಲಯದಲ್ಲಿ ತಲಾ ಒಂದರಂತೆ ಒಟ್ಟು 23 ಜೋಡಿಗಳು ತಮ್ಮ ವೈಮನಸ್ಸುಗಳನ್ನು ಮರೆತು ಒಂದಾಗಿ ಸಹಬಾಳ್ವೆ ನಡೆಸಲು ಒಪ್ಪಿಕೊಂಡಿದ್ದು ಸುಖಾಂತ್ಯ ಕಂಡಿವೆ. ರಾಷ್ಟ್ರೀಯ ಲೋಕ್ ಅದಾಲತ್ ನಿಂದ ಸಾಕಷ್ಟು ಜನರಿಗೆ ಅನುಕೂಲವಾಗಿದೆ ಎಂದು ಅವರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending