Connect with us

ರಾಜಕೀಯ

ಜೈ ಹಿಂದ್, ಜೈ ಕರ್ನಾಟಕ

Published

on

ಪ್ರಾಥಮಿಕ ಶಾಲಾ ದಿನಗಳು ನೆನಪಾಗುತ್ತಿವೆ. ಸ್ವಾತಂತ್ರ್ಯೋತ್ಸವ, ಗಣರಾಜ್ಯೋತ್ಸವ ಮತ್ತು ರಾಜ್ಯೋತ್ಸವ ದಿನಗಳಂದು ನಮ್ಮೊಳಗೆ ಎಲ್ಲಿಲ್ಲದ ಹುಮ್ಮಸ್ಸು ರೂಪುಗೊಳ್ಳುತ್ತಿತ್ತು. ಭಾಷಣ, ಗಾಯನ ಹೀಗೆ ವಿವಿಧ ಸ್ಪರ್ಧೆಗಳು ನಡೆಯುತ್ತಿದ್ದವು. ಮುಖ್ಯವಾಗಿ ಭಾಷಣ ಸ್ಪರ್ಧೆಯಲ್ಲಿ ಭಾಗವಹಿಸಿ ಮೊದಲ ಬಹುಮಾನ ಗೆಲ್ಲುವ ತವಕವಿರುತ್ತಿತ್ತು. ಆ ದಿನಗಳಲ್ಲಿ ಅಪ್ಪ ಬರೆದುಕೊಡುತ್ತಿದ್ದ ಎರಡು ಪುಟಗಳ ಭಾಷಣವನ್ನು ಓದಿಕೊಳ್ಳಬೇಕಾಗುತ್ತಿತ್ತು. ಅವರು ಅದರೊಳಗಿನ ತಿರುಳನ್ನು ಹೇಳಿಕೊಡುತ್ತಿದ್ದರು. ಅದನ್ನಷ್ಟೇ ತಿಳಿದುಕೊಂಡು ಭಾಷಣದ ವೇಳೆ ಆ ಕ್ಷಣಕ್ಕೆ ವ್ಯಕ್ತಪಡಿಸಬೇಕು ಎಂದು ಸಲಹೆ ನೀಡುತ್ತಿದ್ದರು. ಆದರೆ, ನಾವು ಆ ಪ್ರತಿಯೊಳಗಿನ ಪ್ರತಿ ವಾಕ್ಯ, ಪದಗಳನ್ನು ಉರುಹೊಡೆದು ನೆನಪಿನಲ್ಲಿರಿಸಿಕೊಳ್ಳುವ ಪ್ರಯತ್ನ ನಡೆಸುತ್ತಿದ್ದೆವೇ ಹೊರತು ಅವರು ಹೇಳಿದ ಹಾಗೆ ಇಡೀ ಪ್ರತಿಯಲ್ಲಿನ ಮಹತ್ವದ ಅಂಶಗಳನ್ನು ಮನನ ಮಾಡಿಕೊಳ್ಳುತ್ತಿರಲಿಲ್ಲ. ಭಾಷಣ ಸ್ಪರ್ಧೆಯಲ್ಲಿ ಭಾಗವಹಿಸುವ ಉತ್ಸಾಹ, ನಾನೇ ಮೊದಲ ಬಹುಮಾನ ಗೆಲ್ಲಬೇಕು ಎಂಬ ಆಸೆಯೇನೋ ಇರುತ್ತಿತ್ತು. ಆ ಕ್ಷಣಕ್ಕೆ ಉರುಹೊಡೆದ ಪದ, ವಾಕ್ಯಗಳು ನೆನಪಾಗದಿದ್ದರೆ ಎಂಬ ಭಯವೂ ಇತ್ತು. ಇದರ ಮಧ್ಯೆಯೂ ಖುಷಿ ನೀಡುತ್ತಿದ್ದ ಸಂಗತಿ ಎಂದರೆ ಭಾಷಣವು ಕೊನೆಗೊಳ್ಳುವ ಸಂದರ್ಭದಲ್ಲಿ ನಾವು ದೊಡ್ಡ ಧ್ವನಿಯಲ್ಲಿ ಹೇಳುತ್ತಿದ್ದ ‘ಜೈ ಹಿಂದ್, ಜೈ ಕರ್ನಾಟಕ’ ಉದ್ಘೋಷ. ಕೊನೆಗೂ ಭಾಷಣ ಮುಗಿಯಿತು ಎಂಬ ನಿರಾಳ ಭಾವವೂ ಸೇರಿ ಆ ಧ್ವನಿಗೆ ಶಕ್ತಿ ಬರುತ್ತಿತ್ತು.

ಮೊದಲ ಪುಟದಲ್ಲಿ ಉಲ್ಲೇಖಿಸಲ್ಪಟ್ಟ ವಾಕ್ಯ, ಪದಗಳು ಸುಲಭವಾಗಿ ನೆನಪಾಗುತ್ತಿದ್ದವು. ಆದರ್ಶ ವ್ಯಕ್ತಿತ್ವಗಳ ಹೆಸರುಗಳನ್ನು ಕ್ರಮಾನುಗತವಾಗಿ ಪ್ರಸ್ತುತಪಡಿಸುತ್ತಿದ್ದೆವು. ಆದರೆ, ತದನಂತರದ ಪುಟದ ವಾಕ್ಯಗಳನ್ನು ಹೇಳುವಾಗ ದ್ವಂದ್ವವಾಗುತ್ತಿತ್ತು. ಭಾಷಣ ಪ್ರತಿಯ ವಿಚಾರಗಳನ್ನು ಸಂಪೂರ್ಣವಾಗಿ ಗೊತ್ತುಮಾಡಿಕೊಳ್ಳದೇ ಕೇವಲ ಉರುಹೊಡೆದ ಕಾರಣಕ್ಕೇ ಈ ಸಮಸ್ಯೆ ಎಂಬುದು ಆಮೇಲೆ ಮನದಟ್ಟಾಯಿತು. ಹಾಗೆ ಮನದಟ್ಟಾದರೂ ಉರುಹೊಡೆದು ಓದಿಕೊಳ್ಳುವ ರೂಢಿಗತ ಅಭ್ಯಾಸ ಬಹುದಿನಗಳ ಕಾಲ ಮುಂದುವರೆದಿತ್ತು. ತೊದಲು ಮಾತು ಪರಿಪೂರ್ಣತೆಯ ಹಂತ ತಲುಪುವವರೆಗಿನ ಅವಧಿ, ನಮ್ಮೊಳಗೆ ಭಾಷೆಯ ಆಕೃತಿಗಳು ಆವರಿಸಿಕೊಳ್ಳುವ ರೀತಿ, ಆ ಮೂಲಕ ನಮಗೆ ಹರಿದುಬರುವ ಮಾಹಿತಿ, ಜ್ಞಾನ – ಇವೆಲ್ಲವೂ ಪ್ರಾಥಮಿಕ ಶಾಲಾ ದಿನಗಳಲ್ಲಿ ಕ್ರಮೇಣ ಅರಿವಿಗೆಟುಕಿದ್ದವು. ನಮ್ಮ ಗಮನವೆಲ್ಲವೂ ಶಾಲೆ, ತರಗತಿ, ಟೀಚರ್ಸ್, ಸ್ನೇಹಿತರು, ಆಟ, ರಜೆಗಳು ಆರಂಭವಾಗುವ ತಿಂಗಳು, ಓದುವ ಅವಧಿಯ ನಂತರ ಆಟಕ್ಕೆ ಹೋಗುವ ಕುತೂಹಲದ ಕಡೆಗೇ ಕೇಂದ್ರೀಕೃತವಾಗಿರುತ್ತಿತ್ತು. ರಾಜಕೀಯವು ಬಾಲ್ಯದ ಪ್ರಜ್ಞೆಯ ಆವರಣದ ಆಚೆಗೇ ಇರುತ್ತಿತ್ತು.

ಈಗ ಹಾಗಲ್ಲ. ಪ್ರಾಥಮಿಕ ಹಂತದಿಂದಲೇ ಶಿಕ್ಷಣದ ಭಾಷೆ ಯಾವುದಾಗಿರಬೇಕು ಎನ್ನುವುದನ್ನು ವಿವೇಚನಾರಹಿತವಾಗಿ ನಿರ್ಧರಿಸಿಬಿಡುವ ವಿಚಿತ್ರ ರಾಜಕಾರಣವು ಮಕ್ಕಳ ಕಲಿಕೆಯ ಸ್ವಾತಂತ್ರ್ಯದ ಮೇಲೆ ದಾಳಿಗೈಯ್ಯುತ್ತಿದೆ. ತರಗತಿಯೊಳಗೆ ಪಠ್ಯವಾಗಿ ಕಲಿಯಲ್ಪಡುವ ಸಂಗತಿಗಳು ರಾಜಕೀಯ ಬಣ್ಣ ಪಡೆಯುತ್ತಿವೆ. ಮೇಷ್ಟ್ರು ಹಾಜರಾತಿ ದೃಢೀಕರಿಸಿಕೊಳ್ಳಲು ನಮ್ಮ ಹೆಸರು ಕೂಗಿದ ತಕ್ಷಣ ಎಸ್ ಸರ್, ಪ್ರೆಸೆಂಟ್ ಸರ್, ಇದೀನಿ ಸಾರ್ ಎಂದು ಪ್ರತಿಕ್ರಿಯಿಸುವ ಸ್ವಾತಂತ್ರ್ಯವನ್ನು ಅಧಿಕಾರ ರಾಜಕಾರಣ ಕಿತ್ತುಕೊಳ್ಳುವುದರ ಕಡೆಗೆ ಆಸಕ್ತಿ ತೋರುತ್ತಿದೆ. ಯಾರು ಹೇಳಲಿ ಬಿಡಲಿ, ಮೇರಾ ಭಾರತ್ ಮಹಾನ್ ಎಂಬ ಹೆಮ್ಮೆಯ ಭಾವವು ರಾಷ್ಟ್ರೀಯ ಉತ್ಸವಗಳ ಮೂಲಕ ಮಕ್ಕಳಲ್ಲಿ ಮೇಳೈಸಿರುತ್ತದೆ. ನಮ್ಮ ನೆಲ, ಜಲದ ಕುರಿತಾದ ಅಭಿಮಾನವನ್ನು ಅಷ್ಟು ಸುಲಭವಾಗಿ ನಮ್ಮಿಂದ ದೂರಮಾಡಲಾಗದು. ಎಸ್ ಸರ್, ಪ್ರೆಸೆಂಟ್ ಸರ್ ಎನ್ನುವ ಬದಲು ಜೈ ಹಿಂದ್ ಹೇಳಬೇಕು ಎನ್ನುವ ಆಡಳಿತಾತ್ಮಕ ನಿಯಮಾವಳಿ ರೂಪಿಸಿ ಅನುಷ್ಠಾನಕ್ಕೆ ತರುವ ಪ್ರಯತ್ನ ರಾಷ್ಟ್ರದ ಕುರಿತಾದ ಅಭಿಮಾನ ಮತ್ತು ಹೆಮ್ಮೆಯ ಭಾವದ ಸಹಜತೆಯನ್ನು ಒಡೆಯುತ್ತದೆ.

ಶಿಕ್ಷಣವು ವಿದ್ಯಾರ್ಥಿಕೇಂದ್ರಿತವಾಗಿರಬೇಕೇ ಹೊರತು ಅಧಿಕಾರಕೇಂದ್ರಿತ ಅತಾರ್ಕಿಕ ನಿರ್ಧಾರಗಳ ತಿವಿತಕ್ಕೀಡಾಗಬಾರದು. ಪ್ರಾಥಮಿಕ, ಪ್ರೌಢ, ಕಾಲೇಜು, ಸ್ನಾತಕೋತ್ತರ – ಹೀಗೆ ಒಂದೊಂದು ಹಂತದಲ್ಲೂ ವಿದ್ಯಾರ್ಥಿಗಳ ಕಲಿಕೆಯು ಹೊಸ ಆಯಾಮ ಪಡೆದುಕೊಳ್ಳುತ್ತಿರುತ್ತದೆ. ವಿದ್ಯಾರ್ಥಿಗಳಿಗೆ ಒಳಿತು-ಕೆಡಕುಗಳ ವಿವೇಚನೆಯು ಹಂತಹಂತವಾಗಿಯೇ ಜೊತೆಯಾಗುತ್ತಾ ಹೋಗುತ್ತದೆ. ಶಿಕ್ಷಕರು, ಪಠ್ಯ ಮತ್ತು ಹಿರಿಯರ ಸಾಂದರ್ಭಿಕ ಮಾತುಗಳ ನೆರವಿನೊಂದಿಗೆ ಅವರು ವಿವೇಚನೆಯನ್ನು ತಮ್ಮದಾಗಿಸಿಕೊಳ್ಳುತ್ತಿರುತ್ತಾರೆ. ಇಂಥ ವಿವೇಚನೆಯನ್ನು ಗಟ್ಟಿಗೊಳಿಸುವ ಹಾಗೆಯೇ ಶಿಕ್ಷಣವು ಪುನರ್‍ಸ್ವರೂಪವನ್ನು ಪಡೆದುಕೊಳ್ಳುತ್ತಿರಬೇಕು. ಈ ಸಾಧ್ಯತೆಯು ಎಷ್ಟು ಬೇಗ ಅನುಷ್ಠಾನಗೊಳ್ಳುತ್ತದೋ ಅಷ್ಟೇ ತೀವ್ರಗತಿಯಲ್ಲಿ ಶಿಕ್ಷಣ ವಲಯದಲ್ಲಿನ ಸುಧಾರಣೆಯ ಪ್ರಕ್ರಿಯೆ ಚಾಲ್ತಿಗೆ ಬರುತ್ತದೆ. ಈ ವಿಷಯದಲ್ಲಿ ಅಧ್ಯಾಪಕವರ್ಗವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಅವರ ಪ್ರತಿಕ್ರಿಯೆಗಳನ್ನು ಆಧರಿಸಿಯೇ ಶಾಸಕಾಂಗ ನಿರ್ಣಯಗಳನ್ನು ತೆಗೆದುಕೊಳ್ಳಬೇಕು. ಎಲ್ಲಕ್ಕಿಂತ ಹೆಚ್ಚಾಗಿ ಶಿಕ್ಷಣ ಇಲಾಖೆಯನ್ನು ಪ್ರತಿನಿಧಿಸುವ ಉನ್ನತ ಹಂತದ ಅಧಿಕಾರಿಗಳು ಈ ವಿಷಯದಲ್ಲಿ ಇಚ್ಛಾಶಕ್ತಿಯನ್ನು ಪ್ರದರ್ಶಿಸಬೇಕು.

ಇಂಥ ಇಚ್ಛಾಶಕ್ತಿಯು ಬೆರಳೆಣಿಕೆಯ ಅಧಿಕಾರಿಗಳಲ್ಲಿ ಮಾತ್ರ ಇದೆ. ಇದಕ್ಕೆ ಸಂಬಂಧಿಸಿದಂತೆ ಅನೇಕ ಅಧಿಕಾರಿಗಳ ನಿರ್ಲಿಪ್ತ ದೃಷ್ಟಿಕೋನವು ಶಾಸಕಾಂಗವನ್ನು ಪ್ರತಿನಿಧಿಸುವ ರಾಜಕಾರಣಿಗಳ ಅತಾರ್ಕಿಕ ನಿರ್ಧಾರ ಮತ್ತು ಲಾಬಿಗಳಿಗೆ ಶಿಕ್ಷಣ ವಲಯವು ಮಣಿಯಬೇಕಾದ ಅನಿವಾರ್ಯತೆ ಸೃಷ್ಟಿಸಿದೆ. ಶಿಕ್ಷಣಕ್ಕೆ ಸಂಬಂಧಿಸಿದಂತೆ ದೂರಗಾಮಿ ಪರಿಣಾಮಗಳನ್ನು ದೃಷ್ಟಿಯಲ್ಲಿರಿಸಿಕೊಂಡು ಅಮೂಲ್ಯ ವಾರ್ಷಿಕ ಯೋಜನೆಗಳನ್ನು ರೂಪಿಸುವ ಬದಲು ಅವರು ಯಥಾಸ್ಥಿತಿಯನ್ನಷ್ಟೇ ಮುಂದುವರೆಸುತ್ತಿದ್ದಾರೆ. ಈ ಬಗೆಯ ತಮ್ಮ ಮಿತಿಯು ಚರ್ಚೆಗೊಳಗಾಗುತ್ತಿದೆ ಎಂಬ ಸುಳಿವು ಸಿಕ್ಕಾಕ್ಷಣವೇ ಜನಪ್ರಿಯ ಧಾಟಿಯ ವಿವಾದಗಳಿಗೆ ಸರಕು ಒದಗಿಸಬಲ್ಲ ವಿವೇಚನಾರಹಿತ ತೀರ್ಮಾನಗಳನ್ನು ಕೈಗೊಳ್ಳುತ್ತಾರೆ. ಲಾಭದ ಹಸಿವಿನಿಂದ ಬಳಲುವ ಸುದ್ದಿಮಾಧ್ಯಮಗಳಿಗೆ ಬಂಡವಾಳ ದುಡಿಯುವ ವಿವಾದದ ಸರಕನ್ನು ಒದಗಿಸುತ್ತಾರೆ. ಪರ ಮತ್ತು ವಿರೋಧಗಳ ಭಾವಾವೇಶದ ಗದ್ದಲದಲ್ಲಿ ಶಿಕ್ಷಣ ವಲಯದಲ್ಲಿ ಕಾಣಲೇಬೇಕಾದ ಸುಧಾರಣೆಯ ಹೆಜ್ಜೆಗಳ ವಿಸ್ತøತ ಚರ್ಚೆಯೇ ನಡೆಯುವುದಿಲ್ಲ. ಆ ಚರ್ಚೆಯಿಲ್ಲದೇ ಇಡೀ ವೃತ್ತಾಂತ ಕೊನೆಗೊಳ್ಳುತ್ತದೆ. ಜನರೂ ಆ ಕ್ಷಣದ ವಿವಾದಾತ್ಮಕ ಸಂಗತಿಯನ್ನು ಮರೆತುಬಿಡುತ್ತಾರೆ. ಚುನಾವಣೆ ಹತ್ತಿರವಾದಾಗ ಇಂಥದ್ದೇ ವಿವಾದೋದ್ಯಮದ ಲಾಭದ ಹವಣಿಗೆಯ ಭಾವೋನ್ಮಾದದ ವಿಷಯಗಳು ಮುನ್ನೆಲೆಗೆ ಬರುತ್ತವೆ.

ತರಗತಿಯಲ್ಲಿರುವ ಮಕ್ಕಳು ಮೇಷ್ಟ್ರು ಹೆಸರು ಹೇಳಿದಾಗ ಎಸ್ ಸರ್ ಎನ್ನುವ ಬದಲು ಜೈಹಿಂದ್ ಎಂದು ಹೇಳಬಹುದು. ಅದು ಕ್ರಿಯೆಯೊಂದಕ್ಕೆ ದಕ್ಕುವ ನಿರ್ದಿಷ್ಟ ಪ್ರತಿಕ್ರಿಯೆಯಾಗುತ್ತದಷ್ಟೇ. ನನ್ನ ಹೆಸರು ಹೇಳಿದ ತಕ್ಷಣ ನಾನು ಕ್ಲಾಸ್‍ನಲ್ಲಿದ್ದೇನೆ ಎಂಬುದನ್ನು ಸ್ಪಷ್ಟಪಡಿಸುವುದಕ್ಕೆ ಎಸ್ ಸರ್ ಅಥವಾ ಪ್ರೆಸೆಂಟ್ ಸರ್ ಎನ್ನುವ ಪ್ರತಿಕ್ರಿಯೆ ಬಳಕೆಯಾಗುತ್ತದೆ. ಗುರುಗಳು ಹೆಸರು ಕೂಗುವುದು, ವಿದ್ಯಾರ್ಥಿಗಳು ಓಗೊಡುವುದು – ಇವೆರಡೂ ತರಗತಿಯಲ್ಲಿ ನಡೆಯುವ ಅತ್ಯಂತ ಸಹಜ ಆಡಳಿತಾತ್ಮಕ ಕ್ರಿಯೆ. ಶಿಕ್ಷಕರು ಮತ್ತು ವಿದ್ಯಾರ್ಥಿಗಳ ನಡುವೆ ಭಾವುಕ ಬಾಂಧವ್ಯವನ್ನು ಗಟ್ಟಿಗೊಳಿಸುವ ಕ್ರಿಯೆಯನ್ನಾಗಿಯೂ ಇದನ್ನು ನೋಡಬಹುದು. ರೆಗ್ಯುಲರ್ ಆಗಿ ತರಗತಿಗೆ ಹಾಜರಾಗುವ ವಿದ್ಯಾರ್ಥಿ ಎಸ್ ಸರ್ ಎಂದು ಹೇಳದಿದ್ದರೆ ಶಿಕ್ಷಕರಿಗೆ ಕಸಿವಿಸಿಯಾಗುತ್ತದೆ. ಯಾಕೆ ಬಂದಿಲ್ಲ ಎಂಬ ಪ್ರಶ್ನೆ ಮೂಡುತ್ತದೆ. ತರಗತಿಗೆ ಚಕ್ಕರ್ ಹೊಡೆಯುವುದನ್ನೇ ಪ್ರವೃತ್ತಿಯಾಗಿಸಿಕೊಂಡವರ ಕುರಿತೂ ಕಾಳಜಿ ಇರುತ್ತದೆ. ಅವರು ಎಷ್ಟೋ ದಿನಗಳ ನಂತರ ಹಾಜರಾಗಿ ಎಸ್ ಸರ್ ಎಂದಾಗ ಪ್ರೀತಿಯಿಂದ ಗದರಿ ಇನ್ಮೇಲಿಂದ ರೆಗ್ಯುಲರ್ ಆಗಿ ಕ್ಲಾಸ್ ಅಟೆಂಡ್ ಆಗಬೇಕು ಎಂದು ಹೇಳುತ್ತಾರೆ. ಇಂಥದ್ದೊಂದು ಶೈಕ್ಷಣಿಕ ಬಾಂಧವ್ಯದ ಆಯಾಮವಿರುವ ಈ ಕ್ರಿಯೆಯನ್ನು ಆಡಳಿತಾತ್ಮಕ ನಿಯಮ ಮತ್ತು ದೇಶಪ್ರೇಮದ ಪರಿಧಿಯ ಕಡ್ಡಾಯ ಆವರಣದೊಳಗೆ ತರುವುದು ಮಕ್ಕಳ ವಿವೇಚನೆಯ ಯಾನದ ಸಕಾರಾತ್ಮಕತೆಯ ದೃಷ್ಟಿಯಿಂದ ಅಪಾಯಕಾರಿ ಎಂದೆನ್ನಿಸುತ್ತದೆ.

ಹಿಂದೆಲ್ಲಾ ಪೆನ್ನು, ನೋಟ್ ಬುಕ್‍ಗಳ ಮೇಲೆ ಕಾಣಿಸಿಕೊಳ್ಳುತ್ತಿದ್ದ ‘ಮೇರಾ ಭಾರತ್ ಮಹಾನ್’ ಎಂಬ ಒಕ್ಕಣೆಯು ನಮ್ಮೊಳಗೆ ಹೆಮ್ಮೆ ಮೂಡಿಸುತ್ತಿತ್ತು. ನಾವು ಕ್ಲಾಸ್‍ನಲ್ಲಿ ಕೇಳಿಸಿಕೊಳ್ಳುತ್ತಿದ್ದ ಉದಾತ್ತ ಯೋಚನೆಗಳು, ಆದರ್ಶ ವ್ಯಕ್ತಿತ್ವಗಳ ಕೊಡುಗೆಗಳ ಬಗ್ಗೆ ತಿಳಿದುಕೊಂಡ ಸಂದರ್ಭದಲ್ಲಿ ಈ ಒಕ್ಕಣೆ ಕಾಣಿಸಿಕೊಂಡಾಗ ನಮ್ಮೊಳಗಿನ ಹೆಮ್ಮೆಯ ಭಾವ ಇಮ್ಮಡಿಗೊಳ್ಳುತ್ತಿತ್ತು. ಇದನ್ನು ನೋಡಲೇಬೇಕೆಂಬ, ಹೆಮ್ಮೆಯ ಭಾವ ಮೂಡಿಸಿಕೊಳ್ಳಲೇಬೇಕು ಎನ್ನುವ ಕಡ್ಡಾಯ ನಿಯಮವಿರಲಿಲ್ಲ. ಆದಾಗ್ಯೂ ಇದು ನಮ್ಮೊಳಗೆ ಆಪ್ತವಾಗಿ ಬೆರೆತುಹೋಗಿತ್ತು. ಉಳಿದೆಲ್ಲ ದೇಶಗಳಿಗಿಂತ ನಮ್ಮ ದೇಶ ಮಹಾನ್ ಎನ್ನುವ ಭಾವ ಅತ್ಯಂತ ಸಂಯಮಪೂರ್ಣವಾಗಿ ನಮ್ಮ ಪ್ರಜ್ಞೆಯೊಳಗೆ ಮೇಳೈಸಿತ್ತು. ಹೆಮ್ಮೆ ಪಟ್ಟುಕೊಳ್ಳುವಂಥ ದೇಶದಲ್ಲಿ ಸಮಸ್ಯೆಗಳೂ ಇವೆ, ಅವುಗಳ ನಿವಾರಣೆಯ ಕಡೆಗೆ ಕಾಳಜಿಪೂರ್ವಕ ಹೆಜ್ಜೆಗಳನ್ನಿಡುತ್ತಲೇ ಇಡೀ ದೇಶವನ್ನು ಮಹಾನ್ ಅಗಿಸುವ ಉದಾತ್ತ ಪ್ರಯತ್ನಗಳ ಕಡೆಗೆ ಗಮನವಿರಬೇಕು ಎಂಬ ಎಚ್ಚರವನ್ನೂ ರೂಢಿಸಿತ್ತು. ಅಧಿಕಾರ ರಾಜಕಾರಣದ ಮೊಗಸಾಲೆಯಿಂದ ಹೊರಟ ನಿರ್ದಿಷ್ಟ ನಿಲುವು ಆಡಳಿತಾತ್ಮಕ ತೀರ್ಮಾನವಾಗಿ ತರಗತಿಗಳ ಒಳಗೆ ಪ್ರವೇಶಿಸಿ ಮಕ್ಕಳಿಂದ ದೇಶದ ಬಗ್ಗೆ ಜೈಕಾರ ಮೊಳಗಬೇಕು ಎಂಬ ಕಾರ್ಯಸೂಚಿ ಅನುಷ್ಠಾನಗೊಂಡರೆ ಅದು ಮುಂದಿನ ದಿನಗಳಲ್ಲಿ ಮತ್ತಷ್ಟು ಸಂಕುಚಿತ ಗೋಡೆಗಳನ್ನು ಸೃಷ್ಟಿಸಬಹುದು. ಅಂಥ ಗೋಡೆಗಳು ಸೃಷ್ಟಿಯಾದರೆ ತರಗತಿಯ ವಿವೇಚನಾತ್ಮಕ ಸೌಂದರ್ಯಕ್ಕೆ ಧಕ್ಕೆಯಾಗುತ್ತದೆ.

ಜೈಹಿಂದ್ ಎಂಬ ಪ್ರತಿಕ್ರಿಯೆ ಕಡ್ಡಾಯವಾಗಿ ಅನುಷ್ಠಾನಗೊಂಡರೆ ಅದರಲ್ಲಿ ತಪ್ಪು ಹುಡುಕುವುದೇಕೆ? ಜಯ ಭಾರತ ಜನನಿಯ ತನುಜಾತೆ, ಜಯಹೇ ಕರ್ನಾಟಕ ಮಾತೆ ಎಂಬ ನಾಡಗೀತೆ ಕಡ್ಡಾಯವಾಗಿ ಶಾಲಾ-ಕಾಲೇಜುಗಳ ಆರಂಭಕ್ಕಿಂತ ಮುನ್ನ ಮೊಳಗುತ್ತಿರುವಾಗ ಇದಕ್ಕೆ ಆಕ್ಷೇಪವೇಕೆ? ಎಂಬ ಪ್ರಶ್ನೆಗಳು ಎದುರಾಗಬಹುದು. ಕುವೆಂಪು ವಿರಚಿತ ಈ ನಾಡಗೀತೆಯು ಕಡ್ಡಾಯ ಪಾಲನೆಯ ನಿಯಮದೊಂದಿಗೆ ಮೊಳಗುವುದಕ್ಕೂ ಜೈಹಿಂದ್ ಎಂಬ ಪ್ರತಿಕ್ರಿಯೆಯು ತರಗತಿಯ ಒಳಗೆ ವ್ಯಕ್ತವಾಗುವುದಕ್ಕೂ ವ್ಯತ್ಯಾಸವಿದೆ. ನಾಡಗೀತೆಯ ಧ್ವನಿಸುರುಳಿ ಶಾಲಾ-ಕಾಲೇಜುಗಳ ಆವರಣದಲ್ಲಿ ಮೊಳಗುವಾಗ ಅದರೊಳಗಿನ ವೈವಿಧ್ಯಮಯ ಸದಾಶಯಗಳ ಸಾಲುಗಳು ವಿದ್ಯಾರ್ಥಿಗಳ ವಿವೇಚನೆಯನ್ನು ವಿಸ್ತರಿಸುತ್ತಿರುತ್ತವೆ. ವಿವಿಧತೆಯಲ್ಲಿ ಏಕತೆ ಸಾಧಿಸಿರುವ ಈ ದೇಶದ ವೈಶಿಷ್ಟ್ಯತೆಯನ್ನು ಮನದಟ್ಟು ಮಾಡಿಕೊಡುತ್ತವೆ. ಅಷ್ಟೇ ಅಲ್ಲ, ಸರ್ವಜನಾಂಗದ ಶಾಂತಿಯ ತೋಟವನ್ನಾಗಿ ಈ ನೆಲವನ್ನು ನೋಡುವ ಸೌಜನ್ಯವನ್ನು ನಮ್ಮದಾಗಿಸಿಕೊಳ್ಳುವ ಒತ್ತಾಸೆ ಮೂಡಿಸುತ್ತವೆ. ಜೈ ಹಿಂದ್ ಎನ್ನುವ ಪ್ರತಿಕ್ರಿಯೆಯು ಕ್ಷಣಾರ್ಧದಲ್ಲಿ ಭಾರತದ ಪರವಾದ ಜಯಕಾರ ಹೇಳುವ ಮಹತ್ವದ ಸಂದರ್ಭವನ್ನು ಸೃಷ್ಟಿಸಬಹುದು. ಆದರೆ, ಈ ಜಯಕಾರದ ಸಾಂದಭಿರ್ಕತೆಯು ನಕಾರಾತ್ಮಕ ದೃಷ್ಟಿಕೋನಗಳಿಗೆ ಪ್ರಚೋದನೆಯನ್ನು ನೀಡಿ ಭಾರತವೇ ಗ್ರೇಟ್ ಎಂಬ ಶ್ರೇಷ್ಠತೆಯ ವ್ಯಸನದ ಸಂಕುಚಿತತೆಯನ್ನು ಬಿತ್ತಿಬಿಡಬಹುದು. ಉಳಿದೆಲ್ಲ ದೇಶಗಳ ವಿಶೇಷತೆಯನ್ನು ಅಲ್ಲಗಳೆಯುವ ವಿತಂಡವಾದಿ ಸ್ವಭಾವವನ್ನು ನೆಲೆಗೊಳಿಸಿಬಿಡಬಹುದು. ತರಗತಿ ಇಂಥ ಸಂಕುಚಿತತೆಯ ಮೂಲನೆಲೆಯಾಗಬಾರದು ಎಂಬ ವಿವೇಕ ರಾಜಕೀಯ ಪಕ್ಷಗಳು ಮತ್ತು ಅಧಿಕಾರ ಕೇಂದ್ರಗಳನ್ನು ಪ್ರತಿನಿಧಿಸುವವರೊಳಗಿರಬೇಕು. ಈ ವಿವೇಕ ಇಲ್ಲದಿರುವುದರಿಂದಲೇ ಅಧಿಕಾರರೂಢ ಪಕ್ಷಗಳು ಶಿಕ್ಷಣ ವಲಯವನ್ನು ತಮ್ಮ ರಾಜಕೀಯ ಲಾಭದ ಕಾರ್ಯತಂತ್ರದ ಭಾಗವಾಗಿ ನೋಡುತ್ತವೆ. ವಿರೋಧ ಪಕ್ಷಗಳೂ ಅದನ್ನು ರಾಜಕೀಯ ವಿವಾದ ಉಂಟುಮಾಡುವುದಕ್ಕಷ್ಟೇ ಬಳಸಿಕೊಂಡುಬಿಡುತ್ತವೆ. ತಾತ್ವಿಕ ಚರ್ಚೆ ಹುಟ್ಟುಹಾಕಿ ಗಮನಾರ್ಹ ಶೈಕ್ಷಣಿಕ ಬದಲಾವಣೆಯ ಚಿಂತನೆಯನ್ನು ಕೊಡುಗೆಯನ್ನಾಗಿ ನೀಡುವುದಿಲ್ಲ.

ಚುನಾವಣೆ ಸನ್ನಿಹಿತವಾಗುತ್ತಿರುವಾಗ ಜನಪ್ರಿಯವೆನ್ನಿಸುವ ಭಾವುಕ ಸಂಗತಿಗಳನ್ನು ಶಿಕ್ಷಣ ಕ್ಷೇತ್ರಕ್ಕೆ ತಳುಕುಹಾಕಿ ತೀರ್ಮಾನಗಳನ್ನು ಘೋಷಿಸುವ ಅವಸರದ ಪ್ರವೃತ್ತಿಯ ಬದಲು ಪ್ರಾಥಮಿಕ ಹಂತದಿಂದ ಹಿಡಿದು ಸ್ನಾತಕೋತ್ತರ ಹಂತದವರೆಗಿನ ಶೈಕ್ಷಣಿಕ ಕಲಿಕೆ ಮತ್ತು ತರಗತಿಗಳ ಸ್ವರೂಪವನ್ನು ಬದಲಾಯಿಸುವುದರ ಬಗ್ಗೆ ರಚನಾತ್ಮಕ ಚಿಂತನೆ ಹೊಳೆಸಿಕೊಳ್ಳಬೇಕಿದೆ. ಶಾಸಕಾಂಗ ಮತ್ತು ಕಾರ್ಯಾಂಗ ದೂರದರ್ಶಿತ್ವದ ಶ್ರದ್ಧೆಯೊಂದಿಗೆ ಇಂಥ ಕಾರ್ಯವನ್ನು ನಿರ್ವಹಿಸಬೇಕಿದೆ. ಹಳ್ಳಿಗಳಲ್ಲಿ ಶಾಲೆಗಳಿಲ್ಲ. ಶಾಲೆಗಳಿದ್ದರೂ ಶಿಕ್ಷಕರಿಲ್ಲ. ಶಿಕ್ಷಕರಿದ್ದರೂ ಅವರಿಗೆ ಉನ್ನತಾಧಿಕಾರಿ ವಲಯದಿಂದ ಹರಿದುಬರುವ ಆದೇಶಗಳ ಒತ್ತಡದ ಉಸಿರುಗಟ್ಟುವ ಪರಿಸ್ಥಿತಿ. ಮೂಲಭೂತ ಸೌಕರ್ಯಗಳಿಲ್ಲದ ಸ್ಥಿತಿಯಲ್ಲಿ ತರಗತಿಯನ್ನು ನಿರ್ವಹಿಸುವ ಅನಿವಾರ್ಯತೆ. ಹಳ್ಳಿ ರಾಜಕಾರಣದ ವಿಚಿತ್ರ ಸಿಕ್ಕುಗಳಲ್ಲಿ ಬಂಧಿಯಾಗುತ್ತಲೇ, ಮಾನಸಿಕವಾಗಿ ನರಳುತ್ತಲೇ ಪಾಠ ಮಾಡಬೇಕಾದ ಸಂದಿಗ್ಧತೆ. ಹೆಚ್ಚು ಸಂಖ್ಯೆಯಲ್ಲಿ ಮಕ್ಕಳಿರುವ ತರಗತಿಯನ್ನು ನಿಭಾಯಿಸುವ ಸವಾಲು. ಆಡಳಿತಾತ್ಮಕ ಕಿರಿಕಿರಿಗಳ ಭಾರದಲ್ಲಿ ಶಿಕ್ಷಕರ ಬೌದ್ಧಿಕ ಶಕ್ತಿ ನಲುಗುತ್ತಿದೆ. ಖಾಸಗಿ ಶಾಲೆ-ಕಾಲೇಜುಗಳ ಸಂಖ್ಯೆ ಹೆಚ್ಚುತ್ತಲೇ ಇದ್ದು, ಸರ್ಕಾರಿ ಶಾಲೆಗಳಲ್ಲಿ ಕಲಿಯಲು ಬರುವ ಮಕ್ಕಳ ಶಿಕ್ಷಣದ ಸಾಧ್ಯತೆಗಳಿಗೆ ವ್ಯಾಪಕ ಆದ್ಯತೆ ಸಿಗುತ್ತಲೇ ಇಲ್ಲ. ಮೌಲಿಕ ಕಲಿಕೆ, ವೃತ್ತಿಪರ ಅವಕಾಶಗಳು ಮತ್ತು ಅಭಿವೃದ್ಧಿ – ಈ ಮೂರೂ ಅಂಶಗಳನ್ನು ಆಧರಿಸಿದ ಸಮಗ್ರ ನೀತಿಯನ್ನು ರೂಪಿಸಿ ವ್ಯವಸ್ಥಿತ ಅನುಷ್ಠಾನ ಸಾಧ್ಯವಾಗಿಸಬೇಕು. ಹಾಗಾದಾಗ ಮಾತ್ರ ಶಿಕ್ಷಣ, ಶಿಕ್ಷಕರು, ತರಗತಿ ಮತ್ತು ವಿದ್ಯಾರ್ಥಿಗಳು ಚುನಾವಣಾ ಅಖಾಡದ ಕಾರ್ಯತಂತ್ರಗಳಿಗೆ ಬಲಿಯಾಗುವುದಿಲ್ಲ. ಪ್ರತಿ ಚುನಾವಣೆಯೂ ಶಿಕ್ಷಣ ರಂಗದ ಸಬಲೀಕರಣದ ಚಿಂತನೆಗಳಿಗೆ ವೇದಿಕೆಯನ್ನು ಒದಗಿಸಬೇಕು. ಚಿಂತನೆಯ ಮಾದರಿ ಲಭ್ಯವಾಗುತ್ತಿರಬೇಕು. ಅದಕ್ಕನುಗುಣವಾಗಿ ತರಗತಿಗಳು ಪ್ರಬುದ್ಧ ನೆಲೆಗಳಾಗಿ ಪರಿವರ್ತಿತವಾಗಬೇಕು. ಇಡೀ ಶಿಕ್ಷಣ ವಲಯವು ದೇಶದ ಉಜ್ವಲ ಭವಿಷ್ಯಕ್ಕೆ ನೆರವಾಗುವ ಅಮೂಲ್ಯ ಸಂಪನ್ಮೂಲವಾಗಬೇಕು.

-ಡಾ.ಎನ್.ಕೆ.ಪದ್ಮನಾಭ

ದಿನದ ಸುದ್ದಿ

ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಸುಗಮ ಮತ ಎಣಿಕೆಗೆ ಸಜ್ಜು 

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆಯನ್ನು ಸುಗಮ, ಪಾರದರ್ಶಕ ಮತ್ತು ಅತ್ಯಂತ ಸುರಕ್ಷಿತವಾಗಿ ನಡೆಸುವ ನಿಟ್ಟಿನಲ್ಲಿ ಎಲ್ಲಾ ಇಲಾಖಾ ಅಧಿಕಾರಿಗಳು ಸಮನ್ವಯದಿಂದ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ. ಅವರು ನಿರ್ದೇಶನ ನೀಡಿದರು.

ಅವರು ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆಯ  ಮತ ಎಣಿಕೆ ಪ್ರಕ್ರಿಯೆ ಕುರಿತು ಅಧಿಕಾರಿಗಳೊಂದಿಗೆ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ವಿಧಾನಸಭಾ ಉಪಚುನಾವಣೆಯ ಮತ ಎಣಿಕೆ ಕಾರ್ಯವು ಸುಗಮವಾಗಿ ಮತ್ತು ಶಾಂತಿಯುತವಾಗಿ ನಡೆಯುವ ದೃಷ್ಟಿಯಿಂದ, ಮತ ಎಣಿಕೆ ಕೇಂದ್ರದ ಸುತ್ತಮುತ್ತಲಿನ 100 ಮೀಟರ್ ಪ್ರದೇಶವನ್ನು ‘ವಾಹನ ಮುಕ್ತ ವಲಯ’  ಎಂದು ಘೋಷಿಸಲಾಗಿದೆ, ಎಣಿಕೆ ಕೇಂದ್ರದ ಗೇಟ್‌ನಿಂದ ಸುತ್ತಲಿನ 100 ಮೀಟರ್ ವ್ಯಾಪ್ತಿಯನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದ್ದು, ಅಲ್ಲಿ ಸಿಆರ್‌ಪಿಸಿ ಕಲಂ 144ರ ಅನ್ವಯ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಕೇಂದ್ರದ ಸುತ್ತಲೂ  ಮೂರು ಹಂತದ ಸಮನ್ವಯ ಭದ್ರತಾ ವ್ಯವಸ್ಥೆಯನ್ನು (Three-tier coordinating security system) ಅಳವಡಿಸಲಾಗುವುದು.  ಮತ ಎಣಿಕೆ ಪ್ರಕ್ರಿಯೆಗೆ ಯಾವುದೇ ಅಡ್ಡಿಯಾಗದಂತೆ ಮತ್ತು ಭದ್ರತಾ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಮತ್ತು ಅನುಮತಿ ಪಡೆದ ವಾಹನಗಳನ್ನು ಹೊರತುಪಡಿಸಿ ಉಳಿದ ಯಾವುದೇ ಖಾಸಗಿ ವಾಹನಗಳ ಪ್ರವೇಶವನ್ನು ಈ ವಲಯದಲ್ಲಿ ಕಟ್ಟುನಿಟ್ಟಾಗಿ ನಿಷೇಧಿಸುವಂತೆ ಸೂಚನೆ ನೀಡಿದರು.

ಮತ ಎಣಿಕೆ ಕೇಂದ್ರದ ರಸ್ತೆಯಲ್ಲಿ ಸಂಚರಿಸುವ ವಾಹನಗಳಿಗೆ ಮತ್ತು ಸಾರ್ವಜನಿಕರಿಗೆ ತೊಂದರೆಯಾಗದಂತೆ ಪೊಲೀಸ್ ಇಲಾಖೆಯ ವತಿಯಿಂದ ಪರ್ಯಾಯ ಸಂಚಾರ ಮಾರ್ಗಗಳನ್ನು ಗುರುತಿಸಲಾಗಿದೆ. ವಾಹನ ಸವಾರರು ಪೊಲೀಸ್ ಸಿಬ್ಬಂದಿಯ ಸೂಚನೆಗಳನ್ನು ಪಾಲಿಸಿ, ನಿಗದಿಪಡಿಸಿದ ಪರ್ಯಾಯ ರಸ್ತೆಗಳನ್ನು ಬಳಸುವ ಮೂಲಕ ಸಹಕರಿಸಬೇಕು ಎಂದು ಮನವಿ ಮಾಡಿದರು.

ಮತ ಎಣಿಕೆ ಸಿಬ್ಬಂದಿ ಮತ್ತು ಅಭ್ಯರ್ಥಿಗಳಿಗೆ ಪ್ರತ್ಯೇಕ ವಾಹನ ಪಾಸ್‌ಗಳನ್ನು ವಿತರಿಸಲಾಗುವುದು. ಎಪಿಎಂಸಿ ಆವರಣ ಹಾಗೂ ಬಿಆರ್‌ಸಿ  ಕಾಲೇಜು ಮೈದಾನದಲ್ಲಿ ವ್ಯವಸ್ಥಿತ ಪಾರ್ಕಿಂಗ್ ಸೌಲಭ್ಯ ಕಲ್ಪಿಸಲು ಸೂಚಿಸಲಾಗಿದೆ. ಮತ ಎಣಿಕೆ ಕೇಂದ್ರದೊಳಗೆ ಮೊಬೈಲ್ ಫೋನ್ ಬಳಕೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಸಿಬ್ಬಂದಿಗಳ ಮೊಬೈಲ್‌ಗಳನ್ನು ಸುರಕ್ಷಿತವಾಗಿ ಇರಿಸಲು ಪ್ರತ್ಯೇಕ ಕೌಂಟರ್ ತೆರೆದು, ಟೋಕನ್ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.

ಮುಂದಿನ ಕೆಲವು ದಿನಗಳಲ್ಲಿ ಮಳೆಯಾಗುವ ಸಾಧ್ಯತೆ ಇರುವುದರಿಂದ, ಮತ ಎಣಿಕೆ ಕಾರ್ಯಕ್ಕೆ ಯಾವುದೇ ಅಡ್ಡಿಯಾಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಎಣಿಕೆ ಕೇಂದ್ರದ ಮೇಲ್ಛಾವಣಿ ಮತ್ತು ವಿದ್ಯುತ್ ಸಂಪರ್ಕ ವ್ಯವಸ್ಥೆಯನ್ನು ಕೂಡಲೇ ಮರುಪರಿಶೀಲಿಸುವಂತೆ ಲೋಕೋಪಯೋಗಿ ಹಾಗೂ ಬೆಸ್ಕಾಂ ಇಲಾಖೆಯ ಕಾರ್ಯಪಾಲಕ ಅಭಿಯಂತರರಿಗೆ ಸೂಚನೆ ನೀಡಿದರು.

ಮಳೆಯಿಂದಾಗಿ ಎಣಿಕೆ ಕೇಂದ್ರದ ಒಳಗೆ ನೀರು ಸೋರದಂತೆ ಹಾಗೂ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸುವುದು ಅವಶ್ಯಕವಾಗಿದೆ. ಈ ನಿಟ್ಟಿನಲ್ಲಿ ಲೋಕೋಪಯೋಗಿ ಹಾಗೂ ಬೆಸ್ಕಾಂ ಇಲಾಖೆಯ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿ, ವ್ಯವಸ್ಥೆ ಸುಸ್ಥಿತಿಯಲ್ಲಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಮತ ಎಣಿಕೆಯು ಪಾರದರ್ಶಕತೆ ಮತ್ತು ಭದ್ರತೆಯ ದೃಷ್ಟಿಯಿಂದ ಕೇಂದ್ರದಾದ್ಯಂತ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾಗಳ ಕಾರ್ಯಕ್ಷಮತೆ ಹಾಗೂ ದೃಶ್ಯೀಕರಣ ವ್ಯಾಪ್ತಿಯನ್ನು ಅಧಿಕಾರಿಗಳು ಪರಿಶೀಲಿಸಿಕೊಂಡು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಖಚಿತ ಪಡಿಸಿಕೊಳ್ಳಬೇಕು. ಪ್ರತಿಯೊಂದು ಎಣಿಕೆ ಟೇಬಲ್ ಹಾಗೂ ಮತಯಂತ್ರಗಳನ್ನು ತರುವ ಹಾದಿಯಲ್ಲಿ ಯಾವುದೇ ‘ಬ್ಲೈಂಡ್ ಸ್ಪಾಟ್’ ಇಲ್ಲದಂತೆ ಕ್ಯಾಮೆರಾಗಳ ಕವರೇಜ್ ಇರಬೇಕು. ಸಿಸಿಟಿವಿ ದೃಶ್ಯಾವಳಿಗಳು ಅಡೆತಡೆಯಿಲ್ಲದೆ ಚಿತ್ರೀಕರಣಗೊಳ್ಳುತ್ತಿರುವುದನ್ನು ತಾಂತ್ರಿಕ ತಂಡವು ದೃಢಪಡಿಸಿಕೊಳ್ಳಬೇಕು ಎಂದು ಅವರು ಸೂಚಿಸಿದರು.

ಮತ ಎಣಿಕೆ ಕೇಂದ್ರದಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿ ಹಾಗೂ ಅಭ್ಯರ್ಥಿಗಳ ಏಜೆಂಟರ ಆರೋಗ್ಯ ದೃಷ್ಟಿಯಿಂದ ಆರೋಗ್ಯ ಇಲಾಖೆಯ ವತಿಯಿಂದ ಒಬ್ಬ ನುರಿತ ವೈದ್ಯರನ್ನೊಳಗೊಂಡ ವೈದ್ಯಕೀಯ ತಂಡವನ್ನು ನಿಯೋಜಿಸಬೇಕು. ತುರ್ತು ಸಂದರ್ಭ ಎದುರಾದಲ್ಲಿ ತಕ್ಷಣದ ಚಿಕಿತ್ಸೆಗಾಗಿ ಅಗತ್ಯ ಔಷಧೋಪಚಾರಗಳೊಂದಿಗೆ ಸುಸಜ್ಜಿತ ಅಂಬುಲೆನ್ಸ್ ಸೇವೆಯನ್ನು ಸ್ಥಳದಲ್ಲಿ ಸದಾ ಸಿದ್ಧವಾಗಿರಿಸಬೇಕು ಎಂದು ತಿಳಿಸಿದರು.

ಅಗ್ನಿಶಾಮಕ ಇಲಾಖೆಯು ಮತ ಎಣಿಕೆ ಕೇಂದ್ರದ ಒಳಾಂಗಣ ಮತ್ತು ಹೊರಾಂಗಣವನ್ನು ಕೂಲಂಕಷವಾಗಿ ಪರಿಶೀಲಿಸಿ, ಯಾವುದೇ ಅಗ್ನಿ ಅವಘಡಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಬೇಕು. ಮುನ್ನೆಚ್ಚರಿಕಾ ಕ್ರಮವಾಗಿ ಕೇಂದ್ರದ ಆವರಣದಲ್ಲಿ ಅಗ್ನಿಶಾಮಕ ವಾಹನಗಳನ್ನು (Fire Engines) ನಿಯೋಜಿಸಬೇಕು ಹಾಗೂ ಅಗ್ನಿಶಾಮಕ ಉಪಕರಣಗಳು ಸುಸ್ಥಿತಿಯಲ್ಲಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಸೂಚನೆ ನೀಡಿದರು.

ಮತ ಎಣಿಕೆ ಪ್ರಕ್ರಿಯೆಯು ಪಾರದರ್ಶಕವಾಗಿ ಮತ್ತು ಶಾಂತಿಯುತವಾಗಿ ನಡೆಯಲು ಎಲ್ಲಾ ಇಲಾಖೆಗಳು ಸಮನ್ವಯದಿಂದ ಕೆಲಸ ಮಾಡುವಂತೆ ತಿಳಿಸಿದರು.

ಬಿಗಿ ಪೊಲೀಸ್ ಬಂದೋಬಸ್ತ್ ಮತ್ತು ಭದ್ರತೆ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಶೇಖರ್ ಹೆಚ್.ಟಿ. ಅವರು ಮಾತನಾಡಿ, ಮತ ಎಣಿಕೆ ಕೇಂದ್ರದ ಒಳಗೆ ಮತ್ತು ಹೊರಗೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ವ್ಯಾಪಕ ಭದ್ರತಾ ವ್ಯವಸ್ಥೆಯನ್ನು ಕೈಗೊಳ್ಳಲಾಗಿದೆ. ಕೇಂದ್ರದ ಸುತ್ತಮುತ್ತ ಸಶಸ್ತ್ರ ಮೀಸಲು ಪಡೆ ಹಾಗೂ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಸಿಸಿಟಿವಿ ಕ್ಯಾಮೆರಾಗಳ ಮೂಲಕ ನಿರಂತರ ನಿಗಾ ವಹಿಸಲಾಗಿದೆ. ಮತ ಎಣಿಕೆ ಕೇಂದ್ರಕ್ಕೆ ಅನಧಿಕೃತ ಸಾರ್ವಜನಿಕರ ಪ್ರವೇಶವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್‌, ಉಪವಿಭಾಗಾಧಿಕಾರಿ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಚುನಾವಣಾಧಿಕಾರಿ ಸಂತೋಷ್‌ ಕುಮಾರ್‌, ಮಹಾನಗರ ಪಾಲಿಕೆ ಆಯುಕ್ತೆ ಹಾಗೂ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಮಮತ ಗೌಡರ್‌, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಷಣ್ಮುಖಪ್ಪ, ಮಹಾನಗರ ಪಾಲಿಕೆ ಕಾರ್ಯಪಾಲಕ ಅಭಿಯಂತರ ಉದಯ್‌ , ಬೆಸ್ಕಾಂ , ಕೆ.ಎಸ್.ಆರ್.ಟಿ.ಸಿ , ಆಗ್ನಿಶಾಮಕ ದಳ , ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕ್ಷೇತ್ರ ಪುನರ್ವಿಂಗಡಣೆ ಮಸೂದೆ ; ಬಿಜೆಪಿ ಷಡ್ಯಂತ್ರ ಬಯಲು : ಕವಿತಾ ಚಂದ್ರಶೇಖರ್ ಕಿಡಿ

Published

on

ಸುದ್ದಿದಿನ,ದಾವಣಗೆರೆ: ಬಿಜೆಪಿಯು ಪಂಚರಾಜ್ಯಗಳ ಚುನಾವಣೆಗಮನದಲ್ಲಿಟ್ಟುಕೊಂಡು ತರಾತುರಿಯಲ್ಲಿ ಮಹಿಳಾ ಮೀಸಲಾತಿಯ ಹೆಸರಿನಲ್ಲಿ ಕ್ಷೇತ್ರ ಪುನರ್ವಿಂಗಡಣೆ ಮಸೂದೆ ಮಂಡನೆ ಮಾಡಲು ಹೋಗಿ ಮುಖಭಂಗಕ್ಕೀಡಾಗಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿ ಕವಿತಾ ಚಂದ್ರಶೇಖರ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸರ್ಕಾರದ ಹುನ್ನಾರ ದೇಶದ ಜನರ ಮುಂದೆ ಬಯಲಾಗಿದೆ. ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಮಹಿಳಾ ಮೀಸಲಾತಿ ಮಸೂದೆಯನ್ನು ಕಾಂಗ್ರೆಸ್ ವಿರೋಧಿಸುತ್ತಿದೆ. ಮಹಿಳೆಯರ ವಿರೋಧಿ ಕಾಂಗ್ರೆಸ್ ಪಕ್ಷ ಎಂದು ಹೇಳುತ್ತಿರುವ ಬಿಜೆಪಿಯು ಮಹಿಳೆಯರ ಭಾವನೆ ಜೊತೆ ಚೆಲ್ಲಾಟ ಆಡುವುದು ಎಷ್ಟರ ಮಟ್ಟಿಗೆ ಸರಿ ಎಂದು ಅವರು ಸುದ್ದಿಗೋಷ್ಟಿಯಲ್ಲಿ ಪ್ರಶ್ನಿಸಿದ್ದಾರೆ.

ಪ್ರತಿಪಕ್ಷಗಳು ಡಿಲಿಮಿಟೇಶನ್ ಮಸೂದೆಗೆ ವಿರೋಧ ವ್ಯಕ್ತಪಡಿಸಿವೆಯೇ ವಿನಾಃ ಮಹಿಳಾ ಮೀಸಲಾತಿ ಮಸೂದೆಗಲ್ಲ. ಕೇಂದ್ರ ಸರ್ಕಾರವು ಪ್ರಾಮಾಣಿಕವಾಗಿದ್ದರೆ 2023 ರ ಕಾನೂನನ್ನು ಜಾರಿಗೆ ತರಬೇಕು.

ನಾರಿ ಶಕ್ತಿ ವಂದನ ಚೌಕಟ್ಟು ಎಂದು ವ್ಯಾಪಕವಾಗಿ ಕರೆಯಲ್ಪಡುವ 2023ರ ಕಾನೂನು, ಶಾಸಕಾಂಗಗಳಲ್ಲಿ ಮಹಿಳೆಯರಿಗೆ ಶೇಕಡಾ 33ರಷ್ಟು ಮೀಸಲಾತಿಯ ಅನುಷ್ಠಾನವನ್ನು ಹೊಸ ಜನಗಣತಿಯನ್ನು ಪೂರ್ಣಗೊಳಿಸಿ ನಂತರ ಡಿಲಿಮಿಟೇಶನ್ ಬಗ್ಗೆ ಚರ್ಚಿಸಿ
ಅನುಷ್ಠಾನಗೊಳಿಸಲಿ. ಅದನ್ನು ಬಿಟ್ಟು ವಿನಾಕಾರಣ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಕೇಂದ್ರ ಸರ್ಕಾರಕ್ಕೆ ಸೋಲಾಗಿರುವುದು “ಪ್ರಜಾಪ್ರಭುತ್ವದ ಗೆಲುವು. ಭಾರತದ ಒಕ್ಕೂಟ ರಚನೆ ಬದಲಾಯಿಸಲು ಮುಂದಾಗಿದ್ದಕ್ಕೆ ತಕ್ಕ ಶಾಸ್ತಿಯಾಗಿದೆ. ಪ್ರಜಾಪ್ರಭುತ್ವ ದುರ್ಬಲಗೊಳಿಸುವ ಕೇಂದ್ರ ಸರ್ಕಾರದ ಪಿತೂರಿಗೆ ತಕ್ಕ ಉತ್ತರ ನೀಡಲಾಗಿದೆ. ಇದು ಸಂವಿಧಾನಕ್ಕೆ ಸಿಕ್ಕ ಗೆಲುವು, ದೇಶಕ್ಕೆ, ವಿರೋಧ ಪಕ್ಷದ ಒಗ್ಗಟ್ಟಿಗೆ ಸಿಕ್ಕ ಗೆಲುವು.

ಉತ್ತರ ಭಾರತದಲ್ಲಿ ಹೆಚ್ಚು ಸ್ಥಾನಗಳನ್ನು ಸೃಷ್ಟಿಸಿ ಹೇಗಾದರೂ ಅಧಿಕಾರದಲ್ಲಿ ಉಳಿಯಬೇಕೆಂಬ ಬಿಜೆಪಿಯ ಪಿತೂರಿ ಜನರಿಗೆ ಅರ್ಥವಾಗಿದೆ. ದಕ್ಷಿಣ ಭಾರತದ ರಾಜ್ಯಗಳಲ್ಲಿ ಕಡಿಮೆ ಸ್ಥಾನ ಆಗುವ ಆತಂಕ ಇದೆ. ಯಾವುದೇ ರೀತಿಯಲ್ಲಿಯೂ ಚರ್ಚಿಸದೇ ಏಕಾಏಕಿ ಕ್ಷೇತ್ರ ಪುನರ್ವಿಂಗಡಣೆ ಮಸೂದೆ ಜಾರಿಗೆ ಮುಂದಾಗಿದ್ದೇಕೆ ಎಂದು ಕವಿತಾ ಚಂದ್ರಶೇಖರ್
ಪ್ರಶ್ನಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮಹಿಳಾ ಮತದಾರರನ್ನು ‘ವೋಟ್ ಬ್ಯಾಂಕ್’ ಆಗಿ ಪರಿವರ್ತಿಸುವ ಬಿಜೆಪಿ ಕುತಂತ್ರ ವಿಫಲವಾಯಿತು : ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ

Published

on

ಸುದ್ದಿದಿನ,ದಾವಣಗೆರೆ:ಬಿಜೆಪಿ ಮಹಿಳಾ ಮತದಾರರನ್ನು ಒಂದು ಪ್ರಬಲ ‘ವೋಟ್ ಬ್ಯಾಂಕ್’ ಆಗಿ ಪರಿವರ್ತಿಸುವಲ್ಲಿ ಪ್ರಯತ್ನಿಸಿತ್ತು. ‘ನಾರಿ ಶಕ್ತಿ’ ಎಂಬ ಬ್ರಾಂಡ್ ಅಡಿಯಲ್ಲಿ ಮಹಿಳೆಯರನ್ನು ನೇರವಾಗಿ ತಲುಪುವ ತಂತ್ರವನ್ನು ಬಿಜೆಪಿ ರೂಪಿಸಿತ್ತು. ಮಹಿಳಾ ಮೀಸಲಾತಿ ಮಸೂದೆಯನ್ನು ಈ ಬ್ರಾಂಡ್‌ನ ಸರ್ವೋಚ್ಚ ಸಾಧನೆಯಾಗಿ ಪ್ರಸ್ತುತಪಡಿಸಲಾಯಿತು. ಆದರೆ ಬಿಜೆಪಿ ಒಂದು ಅತ್ಯಂತ ವ್ಯವಸ್ಥಿತ ಮತ್ತು ಚಾಣಾಕ್ಷ ‘ಪಾಲಿಟಿಕಲ್ ಮಾರ್ಕೆಟಿಂಗ್’ ತಂತ್ರವಾಗಿ ಬಳಸಿಕೊಳ್ಳುವುದಕ್ಕೆಯತ್ನಿಸಿ ವಿಫಲವಾಗಿದೆ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಹೇಳಿದರು.

ಗೃಹ ಕಚೇರಿಯಲ್ಲಿ ಇಂದು ಏರ್ಪಡಿಸಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮಹಿಳಾ ಮೀಸಲಾತಿಯನ್ನು ಕ್ಷೇತ್ರ ಪುನರ್‌ವಿಂಗಡಣೆಗೆ “ಬಲಿಪಶು” ಮಾಡುವುದು ಸರಿಯಲ್ಲ. ೨೦೨೩ರ ಕಾಯಿದೆಯಲ್ಲಿ ಜನಗಣತಿ ನಂತರ ಅನುಷ್ಠಾನ ಎಂದು ತಿಳಿಸಲಾಗಿದೆ. ಆದರೆ ಈಗ ೨೦೧೧ರ ಜನಗಣತಿ ಆಧಾರದಲ್ಲಿ ವೇಗಗೊಳಿಸುವುದು ಏಕೆ? ಜಾತಿ ಜನಗಣತಿಯನ್ನು ಸೇರಿಸದಿದ್ದರೆ ಪುನರ್‌ವಿಂಗಡಣೆಯು ಸಾಮಾಜಿಕ ನ್ಯಾಯಕ್ಕೆ ಹೊಂದುವುದಿಲ್ಲ. ದಕ್ಷಿಣ ರಾಜ್ಯಗಳಲ್ಲಿ ಕುಟುಂಬ ನಿಯಂತ್ರಣದ ಯಶಸ್ಸಿಗೆ ಶಿಕ್ಷೆ ನೀಡುವಂತಾಗಬಾರದು. ಜನಸಂಖ್ಯೆ ನಿಯಂತ್ರಣ ಮಾಡಿದ್ದು ದಕ್ಷಣ ಭಾರತ. ಇದರ ಆಧಾರದ ಮೇರೆಗೆ ಮಸೂದೆ ಜಾರಿಗಿದ್ದರೆ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ ಆಗುತ್ತಿತ್ತು. ಬಿಜೆಪಿ ಚುನಾವಣೆಯಲ್ಲಿ ರಾಜಕೀಯ ಲಾಭ ಪಡೆಯುವ ಹುನ್ನಾರ ಮಾಡಿತು. ಆದರೆ ಮೂರನೇ ಎರಡರಷ್ಟು ಬಹುಮತ ಸಿಗಲಿಲ್ಲ ಎಂದರು.

ಮಸೂದೆಯನ್ನು ವೋಟ್ ಬ್ಯಾಂಕ್ ಆಗಿ ಬಳಕೆ ಮಾಡಿಕೊಂಡು ಮಹಿಳೆಯರ ಭಾವನೆಗಳೊಂದಿಗೆ ಆಟವಾಡಲು ಹೋಯಿತು. ಚುನಾವಣೆಯಲ್ಲಿ ರಾಜಕೀಯ ಲಾಭ ಪಡೆಯುವ ಹುನ್ನಾರ ಮಾಡಿತು. ಆದರೆ ಅದು ನಡೆಯಲಿಲ್ಲ. ನಮ್ಮ ವಿರೋಧವೇನಿದ್ದರು ಪುನರ್ ವಿಂಗಡಣೆ ಮಸೂದೆ ತಿರಸ್ಕರಿಸಿದೆ ಹೊರತು ಮಹಿಳಾ ಮೀಸಲು ಮಸೂದೆ ಅಲ್ಲ ಎಂದರು.

ಪಂಚ ರಾಜ್ಯಗಳಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಿದ್ದರೂ ನರೇಂದ್ರ ಮೋದಿ ಅವರು ದೇಶವನ್ನು ಉದ್ದೇಶಿಸಿ ಮಾತನಾಡಿದ್ದು ಚುನಾವಣಾ ಆಯೋಗ ನಿರ್ಧಾರ ತೆಗೆದುಕೊಳ್ಳಬೇಕು. ಅವರು ಚುನಾವಣೆಯ ಸಂದರ್ಭದಲ್ಲಿ ದೇಶ ಉದ್ದೇಶಿಸಿ ಮಾಡಿದ ಭಾಷಣದಲ್ಲಿ ವಿರೋಧ ಪಕ್ಷಗಳನ್ನು ತೆಗಳಿಕೆ ಮಾಡಿದ್ದು ಸರಿಯಲ್ಲ. ಇದನ್ನು ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಬೇಕು ಎಂದು ಮನವಿಮಾಡಿದರು.

ಮಸೂದೆ ಕುರಿತು ಸರ್ವ ಪಕ್ಷಗಳ ಸಭೆ ಕರೆಯುವಂತೆ ಮಾಡಿಕೊಂಡ ಮನವಿ ಉಪೇಕ್ಷೆ ಮಾಡಿತು ಕೇಂದ್ರ ಸರ್ಕಾರ. ಮಹಿಳಾ ಮೀಸಲಾತಿ ಮಸೂದೆ ಈಗಾಗಲೇ ಲೋಕಸಭೆಯಲ್ಲಿ ಅನುಮೋದನೆ ಸಿಕ್ಕಿದೆ. ಕ್ಷೇತ್ರ ಪುನರ್ ವಿಂಗಡಣೆ ಬಗ್ಗೆ ಆತಂಕ ಇದೆ. ಎಲ್ಲರ ಒಪ್ಪಿಗೆ ಪಡೆದು ಮುಂದುವರೆದಿದ್ದರೆ ಅನುಕೂಲ ಆಗುತ್ತಿತ್ತು. ೨೦೨೪ರಲ್ಲಿ ಮಹಿಳಾ ಮೀಸಲು ಜಾರಿಗೆ ತರುವ ಅವಕಾಶ ಇತ್ರು. ಇದನ್ನು ಮಾಡಲು ಮುಂದಾಗಲಿಲ್ಲ. ಕ್ಷೇತ್ರ ಪುನರ್ ವಿಂಗಡಣೆ ಜಮ್ಮು ಮತ್ತು ಕಾಶ್ಮೀರ ಹಾಗೂ ಅಸ್ಸಾಂ ದಲ್ಲಿ ತಮ್ಮ ಅನುಕೂಲ, ರಾಜಕೀಯ ಲಾಭಕ್ಕೆ ಅನುಗುಣವಾಗಿ ಮಾಡಿ ತೋರಿಸಿದ್ದಾರೆ. ಈ ಬಗ್ಗೆ ಹೆಚ್ಚು ಆತಂಕ ಇದೆ. ಆಡಳಿತ ಪಕ್ಷಕ್ಕೆ ಈ ಮಸೂದೆ ಜಾರಿಗೆ ತರುವ ಬದ್ದತೆ ಇದ್ದಿದ್ದರೆ ಸರ್ವ ಪಕ್ಷಗಳನ್ನು ವಿಶ್ವಾಸಕ್ಕೆ ಪಡೆಯುವ ಪ್ರಯತ್ನ ಮಾಡುತ್ತಿದ್ದರು. ರಾಜೀವ್ ಗಾಂಧಿ ಅವರು ಸ್ಥಳೀಯ ಸಂಸ್ಥೆಯಲ್ಲಿ ಶೇ ೫೦ ಜಾರಿಗೆ ತಂದಿದ್ದೇವೆ ಎಂದರು.

ಜನಸಂಖ್ಯೆ ನಿಯಂತ್ರಣ ಮಾಡಿದ್ದು ದಕ್ಷಣ ಭಾರತ. ಇದರ ಆಧಾರದ ಮೇರೆಗೆ ಜಾರಿಗೆ ತಂದರೆ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ ಆಗಲಿದೆ. ಜನಗಣತಿಯಲ್ಲಿ ಜಾತಿ ಗಣತಿ ನಡೆಯುತ್ತಿದೆಯೇ ಎಂಹುದು ಇನ್ನೂ ಸ್ಪಷ್ಟವಾಗಿ ಹೇಳಿಲ್ಲ. ಉತ್ತರ ಪ್ರದೇಶ ಹಾಗೂ ಕರ್ನಾಟಕದ ಲೋಕಸಭಾ ಕ್ಷೇತ್ರಗಳ ನಡುವೆ ಇರುವ ವ್ಯತ್ಯಾಸ ದೊಡ್ಡದು. ಉತ್ತರ ಭಾರತೀಯ ರಾಜ್ಯಗಳು ಹೆಚ್ಚು ಪ್ರಾಬಲ್ಯ ಸಾಧಿಸಿದರೆ ದಕ್ಷಿಣ ಭಾರತಕ್ಕೆ ತೊಂದರೆ ಆಗುತ್ತದೆ. ಮಸೂದೆ ಮಂಡನೆಗೆ ಇನ್ನೂ ಎರಡು ವರ್ಷಗಳ ಕಾಲಾವಕಾಶ ಇದೆಯಾವುದು ಒಳಿತು ಎಂಬುದು ಮಹಿಳೆಯರು ಆಲೋಚನೆ ಮಾಡಲಿ ಎಂದರು.

ಸುದ್ದಿಗೋಷ್ಟಿಯಲ್ಲಿ ‘ಧೂಡಾ’ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ, ಕಾಂಗ್ರೆಸ್ ಮಹಿಳಾ ಜಿಲ್ಲಾ ಘಟಕದ ಅಧ್ಯಕ್ಷೆ ಅನಿತಾಬಾಯಿ, ಮುಖಂಡರಾದ ಶಿವಕುಮಾರ್, ಅಯೂಬ್ ಪೈಲ್ವಾನ್, ಎ.ನಾಗರಾಜ್ ಹಾಜರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ1 day ago

ದಾವಣಗೆರೆ | ದೇಗುಲಗಳಲ್ಲಿ ನಿಧಿ ಶೋಧನೆ ಯತ್ನ ; ಆರು ಜನರ ಬಂಧನ

ಸುದ್ದಿದಿನ,ದಾವಣಗೆರೆ:ತಾಲ್ಲೂಕಿನ ಕಾಡಜ್ಜಿ ಗ್ರಾಮದ ದೇಗುಲಗಳಲ್ಲಿ ನಿಧಿ ಶೋಧಿಸಲು ಯತ್ನಿಸಿದ ಆರು ಜನರ ಆರೋಪಿಗಳನ್ನು ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಕಾಡಜ್ಜಿ ಗ್ರಾಮದ ಬಸವರಾಜ (42), ಮಲೇಬೆನ್ನೂರಿನ ಪ್ರಕಾಶ...

ದಿನದ ಸುದ್ದಿ2 days ago

ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಸುಗಮ ಮತ ಎಣಿಕೆಗೆ ಸಜ್ಜು 

ಸುದ್ದಿದಿನ,ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆಯನ್ನು ಸುಗಮ, ಪಾರದರ್ಶಕ ಮತ್ತು ಅತ್ಯಂತ ಸುರಕ್ಷಿತವಾಗಿ ನಡೆಸುವ ನಿಟ್ಟಿನಲ್ಲಿ ಎಲ್ಲಾ ಇಲಾಖಾ ಅಧಿಕಾರಿಗಳು ಸಮನ್ವಯದಿಂದ...

ದಿನದ ಸುದ್ದಿ1 week ago

ಎಸ್‌ಎಸ್‌ಎಲ್‌ಸಿ ಫಲಿತಾಂಶ| ಗುರುಕುಲ ಶಾಲೆಯ ವಿದ್ಯಾರ್ಥಿಗಳ ಭರ್ಜರಿ ಸಾಧನೆ; ಶೇ. 98 ಅಂಕಗಳೊಂದಿಗೆ ಮದಿಹಾ ಅಗ್ರಸ್ಥಾನ

ಸುದ್ದಿದಿನ,ದಾವಣಗೆರೆ: 2025–26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ನಗರದ ಪ್ರತಿಷ್ಠಿತ ಶಾಲೆಗಲ್ಲಿ ಒಂದಾದ ಗುರುಕುಲ ಶಾಲೆ (Gurukul School) ಶೈಕ್ಷಣಿಕ ಕ್ಷೇತ್ರದಲ್ಲಿ ಮತ್ತೊಮ್ಮೆ ತನ್ನ ವರ್ಚಸ್ಸನ್ನು...

ದಿನದ ಸುದ್ದಿ1 week ago

ಕ್ಷೇತ್ರ ಪುನರ್ವಿಂಗಡಣೆ ಮಸೂದೆ ; ಬಿಜೆಪಿ ಷಡ್ಯಂತ್ರ ಬಯಲು : ಕವಿತಾ ಚಂದ್ರಶೇಖರ್ ಕಿಡಿ

ಸುದ್ದಿದಿನ,ದಾವಣಗೆರೆ: ಬಿಜೆಪಿಯು ಪಂಚರಾಜ್ಯಗಳ ಚುನಾವಣೆಗಮನದಲ್ಲಿಟ್ಟುಕೊಂಡು ತರಾತುರಿಯಲ್ಲಿ ಮಹಿಳಾ ಮೀಸಲಾತಿಯ ಹೆಸರಿನಲ್ಲಿ ಕ್ಷೇತ್ರ ಪುನರ್ವಿಂಗಡಣೆ ಮಸೂದೆ ಮಂಡನೆ ಮಾಡಲು ಹೋಗಿ ಮುಖಭಂಗಕ್ಕೀಡಾಗಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ...

ದಿನದ ಸುದ್ದಿ1 week ago

ಎಸ್ ಎಸ್ ಎಲ್ ಸಿ ಫಲಿತಾಂಶ | ಭರತ್ ಜಿ ರಾಜ್ಯಕ್ಕೆ ಪ್ರಥಮ ; ನನ್ನ ಕ್ಷೇತ್ರದ ವಿದ್ಯಾರ್ಥಿ ಸಾಧನೆಗೆ ಸಲ್ಯೂಟ್ ಶಾಸಕ ಕೆ.ಎಸ್.ಬಸವಂತಪ್ಪ ಹರ್ಷ

ಸುದ್ದಿದಿನ,ದಾವಣಗೆರೆ:ಇವತ್ತು ನನಗೆ ಬಹಳ ಸಂತೋಷದ ದಿನ. ನನ್ನ ಕ್ಷೇತ್ರದ ಕಬ್ಬಳ ಗ್ರಾಮದ ಒಬ್ಬ ರೈತ ಕುಟುಂಬದಿಂದ ಬಂದ ಜಿ.ಭರತ್ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ 625ಕ್ಕೆ 625 ಅಂಕ ಪಡೆದಿರುವುದು...

ದಿನದ ಸುದ್ದಿ1 week ago

ಏ 25 ರಂದು ಅಗ್ರಿಕಲ್ಚರ್ ಪ್ರಾಕ್ಟಿಕಲ್ ಪರೀಕ್ಷೆಗೆ ಉಚಿತ ತರಬೇತಿ

ಸುದ್ದಿದಿನ,ದಾವಣಗೆರೆ : ನಗರದ ಧವನ್ ಕಾಲೇಜಿನಲ್ಲಿ Viksit47 ಅಕಾಡೆಮಿ ವತಿಯಿಂದ ಉಚಿತ ತರಬೇತಿ ಕಾರ್ಯಗಾರವನ್ನು ಇದೇ 25 ರಂದು ಆಯೋಜಿಸಲಾಗಿದೆ ಎಂದು ಮುಖ್ಯಸ್ಥರಾದ ತೇಜಸ್ ಹೆಚ್.ಎನ್ ಅವರು...

ದಿನದ ಸುದ್ದಿ1 week ago

ಚನ್ನಗಿರಿ | ಎಸ್ ಎಸ್ ಎಲ್ ಸಿ ಫಲಿತಾಂಶ ; ಕಬ್ಬಳ ಶಾಲೆಯ ವಿದ್ಯಾರ್ಥಿ ಭರತ್ ಜಿ ರಾಜ್ಯಕ್ಕೆ ಟಾಪರ್

ಸುದ್ದಿದಿನ,ದಾವಣಗೆರೆ: 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಕಣಿವೆಬಿಳಚಿ ಗ್ರಾಮದ ವಿದ್ಯಾರ್ಥಿ ಭರತ್ ಜಿ. ರಾಜ್ಯಕ್ಕೆ ಟಾಪರ್ ಆಗಿ ಹೊರಹೊಮ್ಮಿದ್ದಾರೆ. 625ಕ್ಕೆ 625 ಅಂಕಗಳನ್ನು...

ದಿನದ ಸುದ್ದಿ2 weeks ago

ನಾಳೆ ಎಸ್ ಎಸ್ ಎಲ್ ಸಿ ಫಲಿತಾಂಶ

ಸುದ್ದಿದಿನ,ಬೆಂಗಳೂರು : ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶವನ್ನು ಗುರುವಾರ (ಮೇ 23) ಮಧ್ಯಾಹ್ನ 12ಕ್ಕೆ ಪ್ರಕಟಿಸಲಾಗುತ್ತದೆ. ಫಲಿತಾಂಶವನ್ನು ವೆಬ್‌ಸೈಟ್ (https://karresults.nic.in) ಲಿಂಕ್ ಮೂಲಕ ಹಾಗೂ KarnatakaOne mobile app...

ದಿನದ ಸುದ್ದಿ2 weeks ago

ಬಾಳೆ ಸಸಿಗಳ ಮಾರಾಟ : ಸಂಪರ್ಕಿಸಿ

ಸುದ್ದಿದಿನ,ದಾವಣಗೆರೆ: ಉತ್ತಮ ಗುಣಮಟ್ಟದ ಜಿ-9 ತಳಿಯ ಅಂಗಾಂಶ ಕೃಷಿ ಬಾಳೆಗಳನ್ನು ಕೃಷಿ ಇಲಾಖೆ ಮಾರಾಟ ಮಾಡಲಾಗುತ್ತಿದೆ. ಆಸಕ್ತ ರೈತರು ಸಹಾಯಕ ತೋಟಗಾರಿಕಾ ಅಧಿಕಾರಿ, ಅಂಗಾಂಶ ಕೃಷಿ ಬಾಳೆ,...

ದಿನದ ಸುದ್ದಿ2 weeks ago

ಮಹಿಳಾ ಮತದಾರರನ್ನು ‘ವೋಟ್ ಬ್ಯಾಂಕ್’ ಆಗಿ ಪರಿವರ್ತಿಸುವ ಬಿಜೆಪಿ ಕುತಂತ್ರ ವಿಫಲವಾಯಿತು : ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ

ಸುದ್ದಿದಿನ,ದಾವಣಗೆರೆ:ಬಿಜೆಪಿ ಮಹಿಳಾ ಮತದಾರರನ್ನು ಒಂದು ಪ್ರಬಲ ‘ವೋಟ್ ಬ್ಯಾಂಕ್’ ಆಗಿ ಪರಿವರ್ತಿಸುವಲ್ಲಿ ಪ್ರಯತ್ನಿಸಿತ್ತು. ‘ನಾರಿ ಶಕ್ತಿ’ ಎಂಬ ಬ್ರಾಂಡ್ ಅಡಿಯಲ್ಲಿ ಮಹಿಳೆಯರನ್ನು ನೇರವಾಗಿ ತಲುಪುವ ತಂತ್ರವನ್ನು ಬಿಜೆಪಿ...

Trending