Connect with us

ರಾಜಕೀಯ

ಜೈ ಹಿಂದ್, ಜೈ ಕರ್ನಾಟಕ

Published

on

ಪ್ರಾಥಮಿಕ ಶಾಲಾ ದಿನಗಳು ನೆನಪಾಗುತ್ತಿವೆ. ಸ್ವಾತಂತ್ರ್ಯೋತ್ಸವ, ಗಣರಾಜ್ಯೋತ್ಸವ ಮತ್ತು ರಾಜ್ಯೋತ್ಸವ ದಿನಗಳಂದು ನಮ್ಮೊಳಗೆ ಎಲ್ಲಿಲ್ಲದ ಹುಮ್ಮಸ್ಸು ರೂಪುಗೊಳ್ಳುತ್ತಿತ್ತು. ಭಾಷಣ, ಗಾಯನ ಹೀಗೆ ವಿವಿಧ ಸ್ಪರ್ಧೆಗಳು ನಡೆಯುತ್ತಿದ್ದವು. ಮುಖ್ಯವಾಗಿ ಭಾಷಣ ಸ್ಪರ್ಧೆಯಲ್ಲಿ ಭಾಗವಹಿಸಿ ಮೊದಲ ಬಹುಮಾನ ಗೆಲ್ಲುವ ತವಕವಿರುತ್ತಿತ್ತು. ಆ ದಿನಗಳಲ್ಲಿ ಅಪ್ಪ ಬರೆದುಕೊಡುತ್ತಿದ್ದ ಎರಡು ಪುಟಗಳ ಭಾಷಣವನ್ನು ಓದಿಕೊಳ್ಳಬೇಕಾಗುತ್ತಿತ್ತು. ಅವರು ಅದರೊಳಗಿನ ತಿರುಳನ್ನು ಹೇಳಿಕೊಡುತ್ತಿದ್ದರು. ಅದನ್ನಷ್ಟೇ ತಿಳಿದುಕೊಂಡು ಭಾಷಣದ ವೇಳೆ ಆ ಕ್ಷಣಕ್ಕೆ ವ್ಯಕ್ತಪಡಿಸಬೇಕು ಎಂದು ಸಲಹೆ ನೀಡುತ್ತಿದ್ದರು. ಆದರೆ, ನಾವು ಆ ಪ್ರತಿಯೊಳಗಿನ ಪ್ರತಿ ವಾಕ್ಯ, ಪದಗಳನ್ನು ಉರುಹೊಡೆದು ನೆನಪಿನಲ್ಲಿರಿಸಿಕೊಳ್ಳುವ ಪ್ರಯತ್ನ ನಡೆಸುತ್ತಿದ್ದೆವೇ ಹೊರತು ಅವರು ಹೇಳಿದ ಹಾಗೆ ಇಡೀ ಪ್ರತಿಯಲ್ಲಿನ ಮಹತ್ವದ ಅಂಶಗಳನ್ನು ಮನನ ಮಾಡಿಕೊಳ್ಳುತ್ತಿರಲಿಲ್ಲ. ಭಾಷಣ ಸ್ಪರ್ಧೆಯಲ್ಲಿ ಭಾಗವಹಿಸುವ ಉತ್ಸಾಹ, ನಾನೇ ಮೊದಲ ಬಹುಮಾನ ಗೆಲ್ಲಬೇಕು ಎಂಬ ಆಸೆಯೇನೋ ಇರುತ್ತಿತ್ತು. ಆ ಕ್ಷಣಕ್ಕೆ ಉರುಹೊಡೆದ ಪದ, ವಾಕ್ಯಗಳು ನೆನಪಾಗದಿದ್ದರೆ ಎಂಬ ಭಯವೂ ಇತ್ತು. ಇದರ ಮಧ್ಯೆಯೂ ಖುಷಿ ನೀಡುತ್ತಿದ್ದ ಸಂಗತಿ ಎಂದರೆ ಭಾಷಣವು ಕೊನೆಗೊಳ್ಳುವ ಸಂದರ್ಭದಲ್ಲಿ ನಾವು ದೊಡ್ಡ ಧ್ವನಿಯಲ್ಲಿ ಹೇಳುತ್ತಿದ್ದ ‘ಜೈ ಹಿಂದ್, ಜೈ ಕರ್ನಾಟಕ’ ಉದ್ಘೋಷ. ಕೊನೆಗೂ ಭಾಷಣ ಮುಗಿಯಿತು ಎಂಬ ನಿರಾಳ ಭಾವವೂ ಸೇರಿ ಆ ಧ್ವನಿಗೆ ಶಕ್ತಿ ಬರುತ್ತಿತ್ತು.

ಮೊದಲ ಪುಟದಲ್ಲಿ ಉಲ್ಲೇಖಿಸಲ್ಪಟ್ಟ ವಾಕ್ಯ, ಪದಗಳು ಸುಲಭವಾಗಿ ನೆನಪಾಗುತ್ತಿದ್ದವು. ಆದರ್ಶ ವ್ಯಕ್ತಿತ್ವಗಳ ಹೆಸರುಗಳನ್ನು ಕ್ರಮಾನುಗತವಾಗಿ ಪ್ರಸ್ತುತಪಡಿಸುತ್ತಿದ್ದೆವು. ಆದರೆ, ತದನಂತರದ ಪುಟದ ವಾಕ್ಯಗಳನ್ನು ಹೇಳುವಾಗ ದ್ವಂದ್ವವಾಗುತ್ತಿತ್ತು. ಭಾಷಣ ಪ್ರತಿಯ ವಿಚಾರಗಳನ್ನು ಸಂಪೂರ್ಣವಾಗಿ ಗೊತ್ತುಮಾಡಿಕೊಳ್ಳದೇ ಕೇವಲ ಉರುಹೊಡೆದ ಕಾರಣಕ್ಕೇ ಈ ಸಮಸ್ಯೆ ಎಂಬುದು ಆಮೇಲೆ ಮನದಟ್ಟಾಯಿತು. ಹಾಗೆ ಮನದಟ್ಟಾದರೂ ಉರುಹೊಡೆದು ಓದಿಕೊಳ್ಳುವ ರೂಢಿಗತ ಅಭ್ಯಾಸ ಬಹುದಿನಗಳ ಕಾಲ ಮುಂದುವರೆದಿತ್ತು. ತೊದಲು ಮಾತು ಪರಿಪೂರ್ಣತೆಯ ಹಂತ ತಲುಪುವವರೆಗಿನ ಅವಧಿ, ನಮ್ಮೊಳಗೆ ಭಾಷೆಯ ಆಕೃತಿಗಳು ಆವರಿಸಿಕೊಳ್ಳುವ ರೀತಿ, ಆ ಮೂಲಕ ನಮಗೆ ಹರಿದುಬರುವ ಮಾಹಿತಿ, ಜ್ಞಾನ – ಇವೆಲ್ಲವೂ ಪ್ರಾಥಮಿಕ ಶಾಲಾ ದಿನಗಳಲ್ಲಿ ಕ್ರಮೇಣ ಅರಿವಿಗೆಟುಕಿದ್ದವು. ನಮ್ಮ ಗಮನವೆಲ್ಲವೂ ಶಾಲೆ, ತರಗತಿ, ಟೀಚರ್ಸ್, ಸ್ನೇಹಿತರು, ಆಟ, ರಜೆಗಳು ಆರಂಭವಾಗುವ ತಿಂಗಳು, ಓದುವ ಅವಧಿಯ ನಂತರ ಆಟಕ್ಕೆ ಹೋಗುವ ಕುತೂಹಲದ ಕಡೆಗೇ ಕೇಂದ್ರೀಕೃತವಾಗಿರುತ್ತಿತ್ತು. ರಾಜಕೀಯವು ಬಾಲ್ಯದ ಪ್ರಜ್ಞೆಯ ಆವರಣದ ಆಚೆಗೇ ಇರುತ್ತಿತ್ತು.

ಈಗ ಹಾಗಲ್ಲ. ಪ್ರಾಥಮಿಕ ಹಂತದಿಂದಲೇ ಶಿಕ್ಷಣದ ಭಾಷೆ ಯಾವುದಾಗಿರಬೇಕು ಎನ್ನುವುದನ್ನು ವಿವೇಚನಾರಹಿತವಾಗಿ ನಿರ್ಧರಿಸಿಬಿಡುವ ವಿಚಿತ್ರ ರಾಜಕಾರಣವು ಮಕ್ಕಳ ಕಲಿಕೆಯ ಸ್ವಾತಂತ್ರ್ಯದ ಮೇಲೆ ದಾಳಿಗೈಯ್ಯುತ್ತಿದೆ. ತರಗತಿಯೊಳಗೆ ಪಠ್ಯವಾಗಿ ಕಲಿಯಲ್ಪಡುವ ಸಂಗತಿಗಳು ರಾಜಕೀಯ ಬಣ್ಣ ಪಡೆಯುತ್ತಿವೆ. ಮೇಷ್ಟ್ರು ಹಾಜರಾತಿ ದೃಢೀಕರಿಸಿಕೊಳ್ಳಲು ನಮ್ಮ ಹೆಸರು ಕೂಗಿದ ತಕ್ಷಣ ಎಸ್ ಸರ್, ಪ್ರೆಸೆಂಟ್ ಸರ್, ಇದೀನಿ ಸಾರ್ ಎಂದು ಪ್ರತಿಕ್ರಿಯಿಸುವ ಸ್ವಾತಂತ್ರ್ಯವನ್ನು ಅಧಿಕಾರ ರಾಜಕಾರಣ ಕಿತ್ತುಕೊಳ್ಳುವುದರ ಕಡೆಗೆ ಆಸಕ್ತಿ ತೋರುತ್ತಿದೆ. ಯಾರು ಹೇಳಲಿ ಬಿಡಲಿ, ಮೇರಾ ಭಾರತ್ ಮಹಾನ್ ಎಂಬ ಹೆಮ್ಮೆಯ ಭಾವವು ರಾಷ್ಟ್ರೀಯ ಉತ್ಸವಗಳ ಮೂಲಕ ಮಕ್ಕಳಲ್ಲಿ ಮೇಳೈಸಿರುತ್ತದೆ. ನಮ್ಮ ನೆಲ, ಜಲದ ಕುರಿತಾದ ಅಭಿಮಾನವನ್ನು ಅಷ್ಟು ಸುಲಭವಾಗಿ ನಮ್ಮಿಂದ ದೂರಮಾಡಲಾಗದು. ಎಸ್ ಸರ್, ಪ್ರೆಸೆಂಟ್ ಸರ್ ಎನ್ನುವ ಬದಲು ಜೈ ಹಿಂದ್ ಹೇಳಬೇಕು ಎನ್ನುವ ಆಡಳಿತಾತ್ಮಕ ನಿಯಮಾವಳಿ ರೂಪಿಸಿ ಅನುಷ್ಠಾನಕ್ಕೆ ತರುವ ಪ್ರಯತ್ನ ರಾಷ್ಟ್ರದ ಕುರಿತಾದ ಅಭಿಮಾನ ಮತ್ತು ಹೆಮ್ಮೆಯ ಭಾವದ ಸಹಜತೆಯನ್ನು ಒಡೆಯುತ್ತದೆ.

ಶಿಕ್ಷಣವು ವಿದ್ಯಾರ್ಥಿಕೇಂದ್ರಿತವಾಗಿರಬೇಕೇ ಹೊರತು ಅಧಿಕಾರಕೇಂದ್ರಿತ ಅತಾರ್ಕಿಕ ನಿರ್ಧಾರಗಳ ತಿವಿತಕ್ಕೀಡಾಗಬಾರದು. ಪ್ರಾಥಮಿಕ, ಪ್ರೌಢ, ಕಾಲೇಜು, ಸ್ನಾತಕೋತ್ತರ – ಹೀಗೆ ಒಂದೊಂದು ಹಂತದಲ್ಲೂ ವಿದ್ಯಾರ್ಥಿಗಳ ಕಲಿಕೆಯು ಹೊಸ ಆಯಾಮ ಪಡೆದುಕೊಳ್ಳುತ್ತಿರುತ್ತದೆ. ವಿದ್ಯಾರ್ಥಿಗಳಿಗೆ ಒಳಿತು-ಕೆಡಕುಗಳ ವಿವೇಚನೆಯು ಹಂತಹಂತವಾಗಿಯೇ ಜೊತೆಯಾಗುತ್ತಾ ಹೋಗುತ್ತದೆ. ಶಿಕ್ಷಕರು, ಪಠ್ಯ ಮತ್ತು ಹಿರಿಯರ ಸಾಂದರ್ಭಿಕ ಮಾತುಗಳ ನೆರವಿನೊಂದಿಗೆ ಅವರು ವಿವೇಚನೆಯನ್ನು ತಮ್ಮದಾಗಿಸಿಕೊಳ್ಳುತ್ತಿರುತ್ತಾರೆ. ಇಂಥ ವಿವೇಚನೆಯನ್ನು ಗಟ್ಟಿಗೊಳಿಸುವ ಹಾಗೆಯೇ ಶಿಕ್ಷಣವು ಪುನರ್‍ಸ್ವರೂಪವನ್ನು ಪಡೆದುಕೊಳ್ಳುತ್ತಿರಬೇಕು. ಈ ಸಾಧ್ಯತೆಯು ಎಷ್ಟು ಬೇಗ ಅನುಷ್ಠಾನಗೊಳ್ಳುತ್ತದೋ ಅಷ್ಟೇ ತೀವ್ರಗತಿಯಲ್ಲಿ ಶಿಕ್ಷಣ ವಲಯದಲ್ಲಿನ ಸುಧಾರಣೆಯ ಪ್ರಕ್ರಿಯೆ ಚಾಲ್ತಿಗೆ ಬರುತ್ತದೆ. ಈ ವಿಷಯದಲ್ಲಿ ಅಧ್ಯಾಪಕವರ್ಗವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಅವರ ಪ್ರತಿಕ್ರಿಯೆಗಳನ್ನು ಆಧರಿಸಿಯೇ ಶಾಸಕಾಂಗ ನಿರ್ಣಯಗಳನ್ನು ತೆಗೆದುಕೊಳ್ಳಬೇಕು. ಎಲ್ಲಕ್ಕಿಂತ ಹೆಚ್ಚಾಗಿ ಶಿಕ್ಷಣ ಇಲಾಖೆಯನ್ನು ಪ್ರತಿನಿಧಿಸುವ ಉನ್ನತ ಹಂತದ ಅಧಿಕಾರಿಗಳು ಈ ವಿಷಯದಲ್ಲಿ ಇಚ್ಛಾಶಕ್ತಿಯನ್ನು ಪ್ರದರ್ಶಿಸಬೇಕು.

ಇಂಥ ಇಚ್ಛಾಶಕ್ತಿಯು ಬೆರಳೆಣಿಕೆಯ ಅಧಿಕಾರಿಗಳಲ್ಲಿ ಮಾತ್ರ ಇದೆ. ಇದಕ್ಕೆ ಸಂಬಂಧಿಸಿದಂತೆ ಅನೇಕ ಅಧಿಕಾರಿಗಳ ನಿರ್ಲಿಪ್ತ ದೃಷ್ಟಿಕೋನವು ಶಾಸಕಾಂಗವನ್ನು ಪ್ರತಿನಿಧಿಸುವ ರಾಜಕಾರಣಿಗಳ ಅತಾರ್ಕಿಕ ನಿರ್ಧಾರ ಮತ್ತು ಲಾಬಿಗಳಿಗೆ ಶಿಕ್ಷಣ ವಲಯವು ಮಣಿಯಬೇಕಾದ ಅನಿವಾರ್ಯತೆ ಸೃಷ್ಟಿಸಿದೆ. ಶಿಕ್ಷಣಕ್ಕೆ ಸಂಬಂಧಿಸಿದಂತೆ ದೂರಗಾಮಿ ಪರಿಣಾಮಗಳನ್ನು ದೃಷ್ಟಿಯಲ್ಲಿರಿಸಿಕೊಂಡು ಅಮೂಲ್ಯ ವಾರ್ಷಿಕ ಯೋಜನೆಗಳನ್ನು ರೂಪಿಸುವ ಬದಲು ಅವರು ಯಥಾಸ್ಥಿತಿಯನ್ನಷ್ಟೇ ಮುಂದುವರೆಸುತ್ತಿದ್ದಾರೆ. ಈ ಬಗೆಯ ತಮ್ಮ ಮಿತಿಯು ಚರ್ಚೆಗೊಳಗಾಗುತ್ತಿದೆ ಎಂಬ ಸುಳಿವು ಸಿಕ್ಕಾಕ್ಷಣವೇ ಜನಪ್ರಿಯ ಧಾಟಿಯ ವಿವಾದಗಳಿಗೆ ಸರಕು ಒದಗಿಸಬಲ್ಲ ವಿವೇಚನಾರಹಿತ ತೀರ್ಮಾನಗಳನ್ನು ಕೈಗೊಳ್ಳುತ್ತಾರೆ. ಲಾಭದ ಹಸಿವಿನಿಂದ ಬಳಲುವ ಸುದ್ದಿಮಾಧ್ಯಮಗಳಿಗೆ ಬಂಡವಾಳ ದುಡಿಯುವ ವಿವಾದದ ಸರಕನ್ನು ಒದಗಿಸುತ್ತಾರೆ. ಪರ ಮತ್ತು ವಿರೋಧಗಳ ಭಾವಾವೇಶದ ಗದ್ದಲದಲ್ಲಿ ಶಿಕ್ಷಣ ವಲಯದಲ್ಲಿ ಕಾಣಲೇಬೇಕಾದ ಸುಧಾರಣೆಯ ಹೆಜ್ಜೆಗಳ ವಿಸ್ತøತ ಚರ್ಚೆಯೇ ನಡೆಯುವುದಿಲ್ಲ. ಆ ಚರ್ಚೆಯಿಲ್ಲದೇ ಇಡೀ ವೃತ್ತಾಂತ ಕೊನೆಗೊಳ್ಳುತ್ತದೆ. ಜನರೂ ಆ ಕ್ಷಣದ ವಿವಾದಾತ್ಮಕ ಸಂಗತಿಯನ್ನು ಮರೆತುಬಿಡುತ್ತಾರೆ. ಚುನಾವಣೆ ಹತ್ತಿರವಾದಾಗ ಇಂಥದ್ದೇ ವಿವಾದೋದ್ಯಮದ ಲಾಭದ ಹವಣಿಗೆಯ ಭಾವೋನ್ಮಾದದ ವಿಷಯಗಳು ಮುನ್ನೆಲೆಗೆ ಬರುತ್ತವೆ.

ತರಗತಿಯಲ್ಲಿರುವ ಮಕ್ಕಳು ಮೇಷ್ಟ್ರು ಹೆಸರು ಹೇಳಿದಾಗ ಎಸ್ ಸರ್ ಎನ್ನುವ ಬದಲು ಜೈಹಿಂದ್ ಎಂದು ಹೇಳಬಹುದು. ಅದು ಕ್ರಿಯೆಯೊಂದಕ್ಕೆ ದಕ್ಕುವ ನಿರ್ದಿಷ್ಟ ಪ್ರತಿಕ್ರಿಯೆಯಾಗುತ್ತದಷ್ಟೇ. ನನ್ನ ಹೆಸರು ಹೇಳಿದ ತಕ್ಷಣ ನಾನು ಕ್ಲಾಸ್‍ನಲ್ಲಿದ್ದೇನೆ ಎಂಬುದನ್ನು ಸ್ಪಷ್ಟಪಡಿಸುವುದಕ್ಕೆ ಎಸ್ ಸರ್ ಅಥವಾ ಪ್ರೆಸೆಂಟ್ ಸರ್ ಎನ್ನುವ ಪ್ರತಿಕ್ರಿಯೆ ಬಳಕೆಯಾಗುತ್ತದೆ. ಗುರುಗಳು ಹೆಸರು ಕೂಗುವುದು, ವಿದ್ಯಾರ್ಥಿಗಳು ಓಗೊಡುವುದು – ಇವೆರಡೂ ತರಗತಿಯಲ್ಲಿ ನಡೆಯುವ ಅತ್ಯಂತ ಸಹಜ ಆಡಳಿತಾತ್ಮಕ ಕ್ರಿಯೆ. ಶಿಕ್ಷಕರು ಮತ್ತು ವಿದ್ಯಾರ್ಥಿಗಳ ನಡುವೆ ಭಾವುಕ ಬಾಂಧವ್ಯವನ್ನು ಗಟ್ಟಿಗೊಳಿಸುವ ಕ್ರಿಯೆಯನ್ನಾಗಿಯೂ ಇದನ್ನು ನೋಡಬಹುದು. ರೆಗ್ಯುಲರ್ ಆಗಿ ತರಗತಿಗೆ ಹಾಜರಾಗುವ ವಿದ್ಯಾರ್ಥಿ ಎಸ್ ಸರ್ ಎಂದು ಹೇಳದಿದ್ದರೆ ಶಿಕ್ಷಕರಿಗೆ ಕಸಿವಿಸಿಯಾಗುತ್ತದೆ. ಯಾಕೆ ಬಂದಿಲ್ಲ ಎಂಬ ಪ್ರಶ್ನೆ ಮೂಡುತ್ತದೆ. ತರಗತಿಗೆ ಚಕ್ಕರ್ ಹೊಡೆಯುವುದನ್ನೇ ಪ್ರವೃತ್ತಿಯಾಗಿಸಿಕೊಂಡವರ ಕುರಿತೂ ಕಾಳಜಿ ಇರುತ್ತದೆ. ಅವರು ಎಷ್ಟೋ ದಿನಗಳ ನಂತರ ಹಾಜರಾಗಿ ಎಸ್ ಸರ್ ಎಂದಾಗ ಪ್ರೀತಿಯಿಂದ ಗದರಿ ಇನ್ಮೇಲಿಂದ ರೆಗ್ಯುಲರ್ ಆಗಿ ಕ್ಲಾಸ್ ಅಟೆಂಡ್ ಆಗಬೇಕು ಎಂದು ಹೇಳುತ್ತಾರೆ. ಇಂಥದ್ದೊಂದು ಶೈಕ್ಷಣಿಕ ಬಾಂಧವ್ಯದ ಆಯಾಮವಿರುವ ಈ ಕ್ರಿಯೆಯನ್ನು ಆಡಳಿತಾತ್ಮಕ ನಿಯಮ ಮತ್ತು ದೇಶಪ್ರೇಮದ ಪರಿಧಿಯ ಕಡ್ಡಾಯ ಆವರಣದೊಳಗೆ ತರುವುದು ಮಕ್ಕಳ ವಿವೇಚನೆಯ ಯಾನದ ಸಕಾರಾತ್ಮಕತೆಯ ದೃಷ್ಟಿಯಿಂದ ಅಪಾಯಕಾರಿ ಎಂದೆನ್ನಿಸುತ್ತದೆ.

ಹಿಂದೆಲ್ಲಾ ಪೆನ್ನು, ನೋಟ್ ಬುಕ್‍ಗಳ ಮೇಲೆ ಕಾಣಿಸಿಕೊಳ್ಳುತ್ತಿದ್ದ ‘ಮೇರಾ ಭಾರತ್ ಮಹಾನ್’ ಎಂಬ ಒಕ್ಕಣೆಯು ನಮ್ಮೊಳಗೆ ಹೆಮ್ಮೆ ಮೂಡಿಸುತ್ತಿತ್ತು. ನಾವು ಕ್ಲಾಸ್‍ನಲ್ಲಿ ಕೇಳಿಸಿಕೊಳ್ಳುತ್ತಿದ್ದ ಉದಾತ್ತ ಯೋಚನೆಗಳು, ಆದರ್ಶ ವ್ಯಕ್ತಿತ್ವಗಳ ಕೊಡುಗೆಗಳ ಬಗ್ಗೆ ತಿಳಿದುಕೊಂಡ ಸಂದರ್ಭದಲ್ಲಿ ಈ ಒಕ್ಕಣೆ ಕಾಣಿಸಿಕೊಂಡಾಗ ನಮ್ಮೊಳಗಿನ ಹೆಮ್ಮೆಯ ಭಾವ ಇಮ್ಮಡಿಗೊಳ್ಳುತ್ತಿತ್ತು. ಇದನ್ನು ನೋಡಲೇಬೇಕೆಂಬ, ಹೆಮ್ಮೆಯ ಭಾವ ಮೂಡಿಸಿಕೊಳ್ಳಲೇಬೇಕು ಎನ್ನುವ ಕಡ್ಡಾಯ ನಿಯಮವಿರಲಿಲ್ಲ. ಆದಾಗ್ಯೂ ಇದು ನಮ್ಮೊಳಗೆ ಆಪ್ತವಾಗಿ ಬೆರೆತುಹೋಗಿತ್ತು. ಉಳಿದೆಲ್ಲ ದೇಶಗಳಿಗಿಂತ ನಮ್ಮ ದೇಶ ಮಹಾನ್ ಎನ್ನುವ ಭಾವ ಅತ್ಯಂತ ಸಂಯಮಪೂರ್ಣವಾಗಿ ನಮ್ಮ ಪ್ರಜ್ಞೆಯೊಳಗೆ ಮೇಳೈಸಿತ್ತು. ಹೆಮ್ಮೆ ಪಟ್ಟುಕೊಳ್ಳುವಂಥ ದೇಶದಲ್ಲಿ ಸಮಸ್ಯೆಗಳೂ ಇವೆ, ಅವುಗಳ ನಿವಾರಣೆಯ ಕಡೆಗೆ ಕಾಳಜಿಪೂರ್ವಕ ಹೆಜ್ಜೆಗಳನ್ನಿಡುತ್ತಲೇ ಇಡೀ ದೇಶವನ್ನು ಮಹಾನ್ ಅಗಿಸುವ ಉದಾತ್ತ ಪ್ರಯತ್ನಗಳ ಕಡೆಗೆ ಗಮನವಿರಬೇಕು ಎಂಬ ಎಚ್ಚರವನ್ನೂ ರೂಢಿಸಿತ್ತು. ಅಧಿಕಾರ ರಾಜಕಾರಣದ ಮೊಗಸಾಲೆಯಿಂದ ಹೊರಟ ನಿರ್ದಿಷ್ಟ ನಿಲುವು ಆಡಳಿತಾತ್ಮಕ ತೀರ್ಮಾನವಾಗಿ ತರಗತಿಗಳ ಒಳಗೆ ಪ್ರವೇಶಿಸಿ ಮಕ್ಕಳಿಂದ ದೇಶದ ಬಗ್ಗೆ ಜೈಕಾರ ಮೊಳಗಬೇಕು ಎಂಬ ಕಾರ್ಯಸೂಚಿ ಅನುಷ್ಠಾನಗೊಂಡರೆ ಅದು ಮುಂದಿನ ದಿನಗಳಲ್ಲಿ ಮತ್ತಷ್ಟು ಸಂಕುಚಿತ ಗೋಡೆಗಳನ್ನು ಸೃಷ್ಟಿಸಬಹುದು. ಅಂಥ ಗೋಡೆಗಳು ಸೃಷ್ಟಿಯಾದರೆ ತರಗತಿಯ ವಿವೇಚನಾತ್ಮಕ ಸೌಂದರ್ಯಕ್ಕೆ ಧಕ್ಕೆಯಾಗುತ್ತದೆ.

ಜೈಹಿಂದ್ ಎಂಬ ಪ್ರತಿಕ್ರಿಯೆ ಕಡ್ಡಾಯವಾಗಿ ಅನುಷ್ಠಾನಗೊಂಡರೆ ಅದರಲ್ಲಿ ತಪ್ಪು ಹುಡುಕುವುದೇಕೆ? ಜಯ ಭಾರತ ಜನನಿಯ ತನುಜಾತೆ, ಜಯಹೇ ಕರ್ನಾಟಕ ಮಾತೆ ಎಂಬ ನಾಡಗೀತೆ ಕಡ್ಡಾಯವಾಗಿ ಶಾಲಾ-ಕಾಲೇಜುಗಳ ಆರಂಭಕ್ಕಿಂತ ಮುನ್ನ ಮೊಳಗುತ್ತಿರುವಾಗ ಇದಕ್ಕೆ ಆಕ್ಷೇಪವೇಕೆ? ಎಂಬ ಪ್ರಶ್ನೆಗಳು ಎದುರಾಗಬಹುದು. ಕುವೆಂಪು ವಿರಚಿತ ಈ ನಾಡಗೀತೆಯು ಕಡ್ಡಾಯ ಪಾಲನೆಯ ನಿಯಮದೊಂದಿಗೆ ಮೊಳಗುವುದಕ್ಕೂ ಜೈಹಿಂದ್ ಎಂಬ ಪ್ರತಿಕ್ರಿಯೆಯು ತರಗತಿಯ ಒಳಗೆ ವ್ಯಕ್ತವಾಗುವುದಕ್ಕೂ ವ್ಯತ್ಯಾಸವಿದೆ. ನಾಡಗೀತೆಯ ಧ್ವನಿಸುರುಳಿ ಶಾಲಾ-ಕಾಲೇಜುಗಳ ಆವರಣದಲ್ಲಿ ಮೊಳಗುವಾಗ ಅದರೊಳಗಿನ ವೈವಿಧ್ಯಮಯ ಸದಾಶಯಗಳ ಸಾಲುಗಳು ವಿದ್ಯಾರ್ಥಿಗಳ ವಿವೇಚನೆಯನ್ನು ವಿಸ್ತರಿಸುತ್ತಿರುತ್ತವೆ. ವಿವಿಧತೆಯಲ್ಲಿ ಏಕತೆ ಸಾಧಿಸಿರುವ ಈ ದೇಶದ ವೈಶಿಷ್ಟ್ಯತೆಯನ್ನು ಮನದಟ್ಟು ಮಾಡಿಕೊಡುತ್ತವೆ. ಅಷ್ಟೇ ಅಲ್ಲ, ಸರ್ವಜನಾಂಗದ ಶಾಂತಿಯ ತೋಟವನ್ನಾಗಿ ಈ ನೆಲವನ್ನು ನೋಡುವ ಸೌಜನ್ಯವನ್ನು ನಮ್ಮದಾಗಿಸಿಕೊಳ್ಳುವ ಒತ್ತಾಸೆ ಮೂಡಿಸುತ್ತವೆ. ಜೈ ಹಿಂದ್ ಎನ್ನುವ ಪ್ರತಿಕ್ರಿಯೆಯು ಕ್ಷಣಾರ್ಧದಲ್ಲಿ ಭಾರತದ ಪರವಾದ ಜಯಕಾರ ಹೇಳುವ ಮಹತ್ವದ ಸಂದರ್ಭವನ್ನು ಸೃಷ್ಟಿಸಬಹುದು. ಆದರೆ, ಈ ಜಯಕಾರದ ಸಾಂದಭಿರ್ಕತೆಯು ನಕಾರಾತ್ಮಕ ದೃಷ್ಟಿಕೋನಗಳಿಗೆ ಪ್ರಚೋದನೆಯನ್ನು ನೀಡಿ ಭಾರತವೇ ಗ್ರೇಟ್ ಎಂಬ ಶ್ರೇಷ್ಠತೆಯ ವ್ಯಸನದ ಸಂಕುಚಿತತೆಯನ್ನು ಬಿತ್ತಿಬಿಡಬಹುದು. ಉಳಿದೆಲ್ಲ ದೇಶಗಳ ವಿಶೇಷತೆಯನ್ನು ಅಲ್ಲಗಳೆಯುವ ವಿತಂಡವಾದಿ ಸ್ವಭಾವವನ್ನು ನೆಲೆಗೊಳಿಸಿಬಿಡಬಹುದು. ತರಗತಿ ಇಂಥ ಸಂಕುಚಿತತೆಯ ಮೂಲನೆಲೆಯಾಗಬಾರದು ಎಂಬ ವಿವೇಕ ರಾಜಕೀಯ ಪಕ್ಷಗಳು ಮತ್ತು ಅಧಿಕಾರ ಕೇಂದ್ರಗಳನ್ನು ಪ್ರತಿನಿಧಿಸುವವರೊಳಗಿರಬೇಕು. ಈ ವಿವೇಕ ಇಲ್ಲದಿರುವುದರಿಂದಲೇ ಅಧಿಕಾರರೂಢ ಪಕ್ಷಗಳು ಶಿಕ್ಷಣ ವಲಯವನ್ನು ತಮ್ಮ ರಾಜಕೀಯ ಲಾಭದ ಕಾರ್ಯತಂತ್ರದ ಭಾಗವಾಗಿ ನೋಡುತ್ತವೆ. ವಿರೋಧ ಪಕ್ಷಗಳೂ ಅದನ್ನು ರಾಜಕೀಯ ವಿವಾದ ಉಂಟುಮಾಡುವುದಕ್ಕಷ್ಟೇ ಬಳಸಿಕೊಂಡುಬಿಡುತ್ತವೆ. ತಾತ್ವಿಕ ಚರ್ಚೆ ಹುಟ್ಟುಹಾಕಿ ಗಮನಾರ್ಹ ಶೈಕ್ಷಣಿಕ ಬದಲಾವಣೆಯ ಚಿಂತನೆಯನ್ನು ಕೊಡುಗೆಯನ್ನಾಗಿ ನೀಡುವುದಿಲ್ಲ.

ಚುನಾವಣೆ ಸನ್ನಿಹಿತವಾಗುತ್ತಿರುವಾಗ ಜನಪ್ರಿಯವೆನ್ನಿಸುವ ಭಾವುಕ ಸಂಗತಿಗಳನ್ನು ಶಿಕ್ಷಣ ಕ್ಷೇತ್ರಕ್ಕೆ ತಳುಕುಹಾಕಿ ತೀರ್ಮಾನಗಳನ್ನು ಘೋಷಿಸುವ ಅವಸರದ ಪ್ರವೃತ್ತಿಯ ಬದಲು ಪ್ರಾಥಮಿಕ ಹಂತದಿಂದ ಹಿಡಿದು ಸ್ನಾತಕೋತ್ತರ ಹಂತದವರೆಗಿನ ಶೈಕ್ಷಣಿಕ ಕಲಿಕೆ ಮತ್ತು ತರಗತಿಗಳ ಸ್ವರೂಪವನ್ನು ಬದಲಾಯಿಸುವುದರ ಬಗ್ಗೆ ರಚನಾತ್ಮಕ ಚಿಂತನೆ ಹೊಳೆಸಿಕೊಳ್ಳಬೇಕಿದೆ. ಶಾಸಕಾಂಗ ಮತ್ತು ಕಾರ್ಯಾಂಗ ದೂರದರ್ಶಿತ್ವದ ಶ್ರದ್ಧೆಯೊಂದಿಗೆ ಇಂಥ ಕಾರ್ಯವನ್ನು ನಿರ್ವಹಿಸಬೇಕಿದೆ. ಹಳ್ಳಿಗಳಲ್ಲಿ ಶಾಲೆಗಳಿಲ್ಲ. ಶಾಲೆಗಳಿದ್ದರೂ ಶಿಕ್ಷಕರಿಲ್ಲ. ಶಿಕ್ಷಕರಿದ್ದರೂ ಅವರಿಗೆ ಉನ್ನತಾಧಿಕಾರಿ ವಲಯದಿಂದ ಹರಿದುಬರುವ ಆದೇಶಗಳ ಒತ್ತಡದ ಉಸಿರುಗಟ್ಟುವ ಪರಿಸ್ಥಿತಿ. ಮೂಲಭೂತ ಸೌಕರ್ಯಗಳಿಲ್ಲದ ಸ್ಥಿತಿಯಲ್ಲಿ ತರಗತಿಯನ್ನು ನಿರ್ವಹಿಸುವ ಅನಿವಾರ್ಯತೆ. ಹಳ್ಳಿ ರಾಜಕಾರಣದ ವಿಚಿತ್ರ ಸಿಕ್ಕುಗಳಲ್ಲಿ ಬಂಧಿಯಾಗುತ್ತಲೇ, ಮಾನಸಿಕವಾಗಿ ನರಳುತ್ತಲೇ ಪಾಠ ಮಾಡಬೇಕಾದ ಸಂದಿಗ್ಧತೆ. ಹೆಚ್ಚು ಸಂಖ್ಯೆಯಲ್ಲಿ ಮಕ್ಕಳಿರುವ ತರಗತಿಯನ್ನು ನಿಭಾಯಿಸುವ ಸವಾಲು. ಆಡಳಿತಾತ್ಮಕ ಕಿರಿಕಿರಿಗಳ ಭಾರದಲ್ಲಿ ಶಿಕ್ಷಕರ ಬೌದ್ಧಿಕ ಶಕ್ತಿ ನಲುಗುತ್ತಿದೆ. ಖಾಸಗಿ ಶಾಲೆ-ಕಾಲೇಜುಗಳ ಸಂಖ್ಯೆ ಹೆಚ್ಚುತ್ತಲೇ ಇದ್ದು, ಸರ್ಕಾರಿ ಶಾಲೆಗಳಲ್ಲಿ ಕಲಿಯಲು ಬರುವ ಮಕ್ಕಳ ಶಿಕ್ಷಣದ ಸಾಧ್ಯತೆಗಳಿಗೆ ವ್ಯಾಪಕ ಆದ್ಯತೆ ಸಿಗುತ್ತಲೇ ಇಲ್ಲ. ಮೌಲಿಕ ಕಲಿಕೆ, ವೃತ್ತಿಪರ ಅವಕಾಶಗಳು ಮತ್ತು ಅಭಿವೃದ್ಧಿ – ಈ ಮೂರೂ ಅಂಶಗಳನ್ನು ಆಧರಿಸಿದ ಸಮಗ್ರ ನೀತಿಯನ್ನು ರೂಪಿಸಿ ವ್ಯವಸ್ಥಿತ ಅನುಷ್ಠಾನ ಸಾಧ್ಯವಾಗಿಸಬೇಕು. ಹಾಗಾದಾಗ ಮಾತ್ರ ಶಿಕ್ಷಣ, ಶಿಕ್ಷಕರು, ತರಗತಿ ಮತ್ತು ವಿದ್ಯಾರ್ಥಿಗಳು ಚುನಾವಣಾ ಅಖಾಡದ ಕಾರ್ಯತಂತ್ರಗಳಿಗೆ ಬಲಿಯಾಗುವುದಿಲ್ಲ. ಪ್ರತಿ ಚುನಾವಣೆಯೂ ಶಿಕ್ಷಣ ರಂಗದ ಸಬಲೀಕರಣದ ಚಿಂತನೆಗಳಿಗೆ ವೇದಿಕೆಯನ್ನು ಒದಗಿಸಬೇಕು. ಚಿಂತನೆಯ ಮಾದರಿ ಲಭ್ಯವಾಗುತ್ತಿರಬೇಕು. ಅದಕ್ಕನುಗುಣವಾಗಿ ತರಗತಿಗಳು ಪ್ರಬುದ್ಧ ನೆಲೆಗಳಾಗಿ ಪರಿವರ್ತಿತವಾಗಬೇಕು. ಇಡೀ ಶಿಕ್ಷಣ ವಲಯವು ದೇಶದ ಉಜ್ವಲ ಭವಿಷ್ಯಕ್ಕೆ ನೆರವಾಗುವ ಅಮೂಲ್ಯ ಸಂಪನ್ಮೂಲವಾಗಬೇಕು.

-ಡಾ.ಎನ್.ಕೆ.ಪದ್ಮನಾಭ

ದಿನದ ಸುದ್ದಿ

ಮಾಠಾಧೀಶರ ಮೇಲೆ ಹಲ್ಲೆ ; ನಿರ್ಲಕ್ಷಿಸಿದರೆ ದುಷ್ಕೃತ್ಯ ಹೆಚ್ಚಳ ಸಂಭವ; ಕಠಿಣ ಕ್ರಮಕ್ಕೆ ಎಚ್.ಆಂಜನೇಯ ಆಗ್ರಹ

Published

on

ಸುದ್ದಿದಿನ,ಚಿತ್ರದುರ್ಗ: ಹರಳಯ್ಯ ಮಠದ ಸ್ವಾಮೀಜಿ ಮೇಲೆ ಮಾರಾಣಾಂತಿಕ ಹಲ್ಲೆಯನ್ನು ನಿರ್ಲಕ್ಷ್ಯ ವಹಿಸಿದರೆ ಮುಂದಿನ ದಿನಗಳಲ್ಲಿ ಮಠಾಧೀಶರ ಮೇಲೆ ಇಂತಹ ದುಷ್ಕೃತ್ಯ ಹೆಚ್ಚಾಗಬಹುದು ಎಂದು ಮಾಜಿ ಸಚಿವ ಎಚ್.ಆಂಜನೇಯ ಆತಂಕ ವ್ಯಕ್ತಪಡಿಸಿದ್ದಾರೆ.

ಎಸಿ, ತಹಸೀಲ್ದಾರ್, ಪೊಲೀಸ್ ಅಧಿಕಾರಿಗಳು, ಗ್ರಾಮದ ಮುಖಂಡರೊಂದಿಗೆ ಐಮಂಗಲ ಸಮೀಪದ ಹರಳಯ್ಯ ಮಠಕ್ಕೆ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿ, ಚಿತ್ರದುರ್ಗ ಜಿಲ್ಲಾಸ್ಪತ್ರೆ ಬಳಿಕ ಮಠಕ್ಕೆ ಶ್ರೀಗಳು ಬಂದಿದ್ದಾರೆಂದು ಭಾವಿಸಿ ಧೈರ್ಯ ಹೇಳಲು ಬಂದಿದ್ದೇನೆ. ಆದರೆ, ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿರುವುದು ಅವರ ಆರೋಗ್ಯ ಸ್ಥಿತಿ ಕುರಿತು ಕಳವಳ ವ್ಯಕ್ತವಾಗಿದೆ ಎಂದರು.

ಮುರುಘ ಮಠದ ಡಾ. ಶ್ರೀ ಶಿವಮೂರ್ತಿ ಮುರುಘ ಶರಣರು ಎಲ್ಲ ಶೋಷಿತ, ದಲಿತ, ಹಿಂದುಳಿದ ವರ್ಗಗಳಿಗೆ ಧಾರ್ಮಿಕ ಸ್ಥಾನ ನೀಡಲು ಹಲವರಿಗೆ ದೀಕ್ಷೆ ನೀಡಿ, ಜಮೀನು ಸೇರಿ ಅಗತ್ಯ
ಸಹಕಾರ ನೀಡಿದ್ದು ಸ್ಮರಣೀಯ. ಆ ಸಂದರ್ಭದಲ್ಲಿ ಹರಳಯ್ಯ ಮಠ ಸ್ಥಾಪನೆಗಾಗಿ ಜಮೀನು ಖರೀದಿಸಲು ಹಣ ಕೊಟ್ಟಿದ್ದರು. ಆ ಹಣದಲ್ಲಿ ಭೂಮಿ ಖರೀದಿಸಿ ಮಠ, ಶಾಲೆ ನಿರ್ಮಿಸಲು ಬಸವ ಹರಳಯ್ಯ ಸ್ವಾಮೀಜಿ ಶ್ರಮಿಸಿ ಸಾಧನೆ ಮಾಡಿದ್ದಾರೆ ಎಂದು ತಿಳಿಸಿದರು.

ಮಠ-ಮಾನ್ಯಗಳು ಮಾಡಬೇಕಾದ ಕಾರ್ಯವನ್ನು ಅತ್ಯಂತ ಶ್ರದ್ಧೆ, ಸವಾಲುಗಳ ಮಧ್ಯೆ,‌ ಹಗಲು-ರಾತ್ರಿ ಶ್ರಮಪಟ್ಟು ಹರಳಯ್ಯ ಸ್ವಾಮೀಜಿ ಮಾಡಿದ್ದಾರೆ. ಸಮಾಜ ಕಲ್ಯಾಣ
ಸಚಿವನಾಗಿದ್ದ ವೇಳೆ 1 ಕೋಟಿ ರೂ. ಅನುದಾನ ಕೊಡಿದ್ದೇ. ಬಳಿಕ ಅಸ್ಥಿತ್ವಕ್ಕೆ ಬಂದ ಸರ್ಕಾರ ಹಾಗೂ ಭಕ್ತರು, ಜನರಿಗೆ ದೇಣಿಗೆ ಸಂಗ್ರಹಿಸಿ ಭವ್ಯವಾದ ಮಠ ನಿರ್ಮಿಸಿದ್ದಾರೆ.
ಸುತ್ತಮುತ್ತಲ ಬಡ ಮಕ್ಕಳಿಗಾಗಿ ಶಾಲೆ, ಸತ್ ಚಿಂತನೆ ಮೂಡಿಸಲು ಧಾರ್ಮಿಕ ಕಾರ್ಯಕ್ಕಾಗಿ ಸಭಾಂಗಣ ನಿರ್ಮಿಸಿದ್ದಾರೆ ಎಂದರು.

ಈ ಸಂದರ್ಭ ತಗ್ಗುಗುಂಡಿ ಆಗಿದ್ದ ಅನುಪಯುಕ್ತ ಎರಡು ಗುಂಟೆ ಜಮೀನು ಗೊಂದಲದಿಂದ ಒತ್ತುವರಿ ಆಗಿದೆ. ಈ ವಿಷಯಕ್ಕಾಗಿ ಹಲವು ಬಾರಿ ವ್ಯಕ್ತಿಯೊರ್ವ ಗಲಾಟೆ ಮಾಡಿದ್ದಾನೆ. ಗೊತ್ತಿಲ್ಲದೆ ಎರಡು ಗುಂಟೆ ಜಾಗ ಒತ್ತುವರಿ ಆಗಿದ್ದು, ತಪ್ಪು ನನ್ನಿಂದಲೇ ಆಗಿದೆಯೆಂದು ಶ್ರೀಗಳು ಒಪ್ಪಿಕೊಂಡಿದ್ದಾರೆ. ಜತೆಗೆ ಆ ಜಾಗಕ್ಕೆ ಈಗಿನ ಮಾರುಕಟ್ಟೆ ಮೌಲ್ಯದಷ್ಟು ಹಣ ಕೊಡುತ್ತೇನೆ ಎಂದು ತಿಳಿಸಿದ್ದಾರೆ. ವ್ಯಕ್ತಿ ನಿರಾಕರಿಸಿದಾಗ ಒತ್ತುವರಿ ಜಾಗದಲ್ಲಿ ಕಟ್ಟಿದ್ದ ಕಾಂಪೌಂಡನ್ನು ಸ್ವಾಮೀಜಿ ಕೆಡವಿಸಿದ್ದಾರೆ. ಆದರೂ ಆ ವ್ಯಕ್ತಿ ದ್ವೇಷ ಮುಂದುವರಿಸಿದ್ದು ಏಕಾಏಕಿ ಮಠಕ್ಕೆ ನುಗ್ಗಿ ಸ್ವಾಮೀಜಿ ಮೇಲೆ
ಮಾರಾಣಾಂತಿಕ ಹಲ್ಲೆ ನಡೆಸಿದ್ದು, ದೂರು ಕೊಡಲು ಠಾಣೆಗೆ ತೆರಳಿರುವ ವಿಷಯ ತಿಳಿದು ಅಲ್ಲಿಗೆ ತೆರಳಿ ಕಾಲಿನಿಂದ ಸ್ವಾಮೀಜಿ ಎದೆಗೆ ಒದ್ದಿದ್ದಾನೆ ಎಂದರು.

ಧಾರ್ಮಿಕ ನೇತಾರರನ್ನು ಗೌರವಿಸುವ ನಾಡು ಭಾರತ. ಇಂತಹ ಸಂದರ್ಭ ಖಾವಿಧಾರಿಯೊಬ್ಬರ ಮೇಲೆ ಮಾರಾಣಾಂತಿಕವಾಗಿ ಹಲ್ಲೆ ನಡೆಸಿ, ಅವ್ಯಾಚ್ಯ ಶಬ್ದಗಳಿಂದ ನಿಂಧಿಸಿರುವುದು ಎಚ್ಚರಿಕೆ
ಗಂಟೆಯಾಗಿದೆ. ಈ ದುಷ್ಕೃತ್ಯವನ್ನು ನಾಡಿನ ಎಲ್ಲ ಮಠಾಧೀಶರು ಖಂಡಿಸಬೇಕು, ಸ್ವಾಮೀಜಿಗೆ ನೈತಿಕವಾಗಿ ಬೆಂಬಲಿಸಬೇಕು. ಇಲ್ಲದಿದ್ದರೇ ಇಂತಹ ಕೃತ್ಯಗಳು ಹೆಚ್ಚಾಗುವ ಸಾಧ್ಯತೆ ಎಂದು ಆತಂಕ ವ್ಯಕ್ತಪಡಿಸಿದರು.

ಹಲ್ಲೆ ನಡೆಸಿದ ಮೂವರನ್ನು ಮಟ್ಟಹಾಕುವ ಶಕ್ತಿ ನಮ್ಮಲ್ಲೂ ಇದೆ. ಆದರೆ, ನಾವು ವಾಮಮಾರ್ಗದಲ್ಲಿ ಸಾಗುವವರಲ್ಲ, ಕಾನೂನು ಪರಿಪಾಲಕರು. ನಮ್ಮ ಹಕ್ಕೋತ್ತಾಯ ಬಸವ
ತತ್ವದಡಿ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಸ್ವಾಮೀಜಿ ಮೇಲೆ ಮಾರಾಣಾಂತಿಕ ಹಲ್ಲೆ ಭೀತಿ ಹುಟ್ಟಿಸುವಂತದ್ದಾಗಿದೆ. ಈ ಕುರಿತು ತಕ್ಷಣವೇ ಎಲ್ಲ ಮಠಾಧೀಶರು, ಧರ್ಮಗಳ ಪ್ರತಿಪಾದಕರು ಖಂಡಿಸಬೇಕು ಎಂದು ಕೋರಿದರು.

ಈಗ ಯಾವುದೇ ಕಾರಣಕ್ಕೂ ಸಂಧಾನ-ಚರ್ಚೆ ಅಗತ್ಯವಿಲ್ಲ. ಮಠದ ಸಾಮಾಜಿಕ ಕಾರ್ಯಕ್ಕಾಗಿ ಸರ್ಕಾರ ಭೂಮಿ ಸ್ವಾಧೀನಪಡಿಸಿಕೊಳ್ಳಬೇಕು. ಅದಕ್ಕೆ ತಗಲುವ ವೆಚ್ಚವನ್ನು ನಾನೇ‌ ಸ್ವಂತವಾಗಿ ಭರಿಸುತ್ತೇನೆ. ತಕ್ಷಣ ಅಧಿಕಾರಿಗಳು ಈ ಸಂಬಂಧ ಕಾರ್ಯಪ್ರವೃತ್ತರಾಗಬೇಕೆಂದು ಆಂಜನೇಯ ಆಗ್ರಹಿಸಿದರಲ್ಲದೇ ಒಂದು ವೇಳೆ ಭೂಮಿ ಯಾರದ್ದಾಗಿದ್ದರೇ ಅವರಿಗೆ ನ್ಯಾಯಯುತವಾಗಿ ಸಲ್ಲಬೇಕಾದ ಪರಿಹಾರ ನೀಡಬಹುದು. ಈ ನಿಟ್ಟಿನಲ್ಲಿ ನಾನು ತಗಲುವ ಸಂಪೂರ್ಣ ವೆಚ್ಚ ಭರಿಸುವೆ ಎಂದು ತಿಳಿಸಿದರು.

ಐಮಂಗಲ ಸುತ್ತಮುತ್ತಲ ಗ್ರಾಮಗಳ ಬಡ ಮಕ್ಕಳಿಗೆ ಶಿಕ್ಷಣ ನೀಡುವುದು, ಅನಾಥಾಲಯ ಸ್ಥಾಪನೆಯ ಸದುದ್ದೇಶ ಹೊಂದಿರುವ ಶ್ರೀಗಳ ಮೇಲೆ ಹಲ್ಲೆ ಇಡೀ ಧಾರ್ಮಿಕ ಮುಖಂಡರಿಗೆ ಮಾಡಿರುವ ಅಪಮಾನ ಮತ್ತು ಅವರಲ್ಲಿ ಭೀತಿ ಸೃಷ್ಠಿಸುವಂತದ್ದಾಗಿದೆ. ಆದ್ದರಿಂದ‌ ಮಾರಾಣಾಂತಿಕ ಹಲ್ಲೆ ನಡೆಸಿದ ವ್ಯಕ್ತಿಗಳನ್ನು ತಕ್ಷಣವೇ ರಾಜ್ಯದಿಂದಲೇ ಗಡಿಪಾರು ಮಾಡಬೇಕು. ಜೊತೆಗೆ ಕಠಿಣ ಶಿಕ್ಷೆ ಆಗುವ ರೀತಿ ಕಾನೂನು ಪ್ರಕ್ರಿಯೆ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಈ‌ ಸಂದರ್ಭದಲ್ಲಿ ಎಸಿ ಕಾಂತರಾಜ್, ಡಿವೈಎಸ್ಪಿ ಶಿವಕುಮಾರ್, ಸಿಪಿಐ ಗುಡ್ಡಪ್ಪ ಹಾಗೂ ಗ್ರಾಮದ ಹಿರಿಯರು
ಉಪಸ್ಥಿತರಿದ್ದರು.

*ಪೋಟೊ ಕ್ಯಾಪ್ಷನ್* ಐಮಂಗಲದ ಹರಳಯ್ಯ ಗುರುಪೀಠಕ್ಕೆ ಶುಕ್ರವಾರ ಸಂಜೆ ಮಾಜಿ‌ಸಚಿವ ಎಚ್.ಆಂಜನೇಯ ‌ಅಧಿಕಾರಿಗಳೊಂದಿಗೆ ಭೇಟಿ‌ ನೀಡಿ‌ ಪರಿಶೀಲಿಸಿದರು.

Continue Reading

ದಿನದ ಸುದ್ದಿ

ದಾವಣಗೆರೆ | ತಾಪಂ ಅನುದಾನ ದುರುಪಯೋಗ: ಮೂವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ತನಿಖೆ ಚುರುಕು

Published

on

ಮುಖ್ಯಾಂಶಗಳು


ಟೆಂಡರ್ ಇಲ್ಲದೆ ಸಾಮಗ್ರಿ ಖರೀದಿ ಆರೋಪ

​ಜುಲೈ 10ರ ವರೆಗೆ ಸ್ಥಳ ಪರಿಶೀಲನೆ, ದಾಖಲೆಗಳ ತಪಾಸಣೆ

ತನಿಖಾಧಿಕಾರಿಗಳ ಮುಂದೆ ಹಾಜರಾಗಲು ದೂರುದಾರರಿಗೆ ನೋಟಿಸ್

ಸುದ್ದಿದಿನ,​ದಾವಣಗೆರೆ: ತಾಲೂಕು ಪಂಚಾಯಿತಿಯ 2022-23ನೇ ಸಾಲಿನ ಅನಿರ್ಬಂಧಿತ ಅನುದಾನದಡಿ ಕೈಗೊಳ್ಳಲಾದ ವಿವಿಧ ಕಾಮಗಾರಿಗಳ ಖರೀದಿ ವ್ಯವಹಾರದಲ್ಲಿ ನಿಯಮ ಉಲ್ಲಂಘಿಸಿ, ಸರ್ಕಾರಿ ಹಣ ದುರುಪಯೋಗಪಡಿಸಿಕೊಂಡಿರುವ ಗಂಭೀರ ಆರೋಪದ ಬೆನ್ನತ್ತಿರುವ ಲೋಕಾಯುಕ್ತ ಸಂಸ್ಥೆಯು ತನಿಖೆಯನ್ನು ತೀವ್ರಗೊಳಿಸಿದೆ.

​ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತದ ತಾಂತ್ರಿಕ ಮತ್ತು ಲೆಕ್ಕಪತ್ರ ಶಾಖೆಯ ಅಧಿಕಾರಿಗಳು ಜುಲೈ 7 ರಿಂದ 10 ರವರೆಗೆ ಜಿಲ್ಲೆಯಲ್ಲಿ ಬೀಡುಬಿಡಲಿದ್ದು, ಸ್ಥಳ ತನಿಖೆ ಹಾಗೂ ದಾಖಲೆಗಳ ಪರಿಶೀಲನೆ ನಡೆಸಲಿದ್ದಾರೆ.

ನಿಯಮ ಗಾಳಿಗೆ: ‘ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ– ಕರ್ನಾಟಕ’ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ. ಕೆ.ಎ. ಓಬಳೇಶ್ ಅವರು 2025ರ ಜನೆವರಿ 21ರಂದು ಲೋಕಾಯುಕ್ತಕ್ಕೆ ಈ ಕುರಿತು ಅಧಿಕೃತ ದೂರು ನೀಡಿದ್ದರು. 2022-23ನೇ ಸಾಲಿನಲ್ಲಿ ದಾವಣಗೆರೆ ತಾಲೂಕು ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದ ವಿವಿಧ ಯೋಜನೆಗಳ ಕಾಮಗಾರಿಗಳಿಗೆ ಸಾಮಗ್ರಿಗಳನ್ನು ಖರೀದಿಸುವಾಗ ಯಾವುದೇ ಟೆಂಡರ್ ಪ್ರಕ್ರಿಯೆ ನಡೆಸಿಲ್ಲ. ಅಧಿಕೃತ ಮಾರಾಟಗಾರರಿಂದ ದರಪಟ್ಟಿ (ಕೊಟೇಷನ್) ಪಡೆಯದೆ, ನಿಯಮಾವಳಿಗಳನ್ನು ಸಂಪೂರ್ಣವಾಗಿ ಗಾಳಿಗೆ ತೂರಿ ಸರ್ಕಾರದ ಹಣ ಪೋಲು ಮಾಡಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.

ತನಿಖೆ ಎದುರಿಸುತ್ತಿರುವವರು

ಶ್ರೀ ಎನ್.ಜೆ. ಆನಂದ್, ಕಾರ್ಯನಿರ್ವಾಹಕ ಅಧಿಕಾರಿ (ಇಒ), ತಾಲೂಕು ಪಂಚಾಯಿತಿ, ದಾವಣಗೆರೆ.

​ಶ್ರೀ ನಾಗರಾಜ್ ನಾಯ್ಕ್, ಸಹಾಯಕ ಲೆಕ್ಕಾಧಿಕಾರಿ, ತಾಲೂಕು ಪಂಚಾಯಿತಿ, ದಾವಣಗೆರೆ.

​ಶ್ರೀ ಚನ್ನಪ್ಪ ಎ., ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ), ಜಿಲ್ಲಾ ಪಂಚಾಯತ್, ದಾವಣಗೆರೆ.

ಕಚೇರಿಯಲ್ಲಿ ತಪಾಸಣೆ

ದೂರಿನ ಅನ್ವಯ ಲೋಕಾಯುಕ್ತದ ತಾಂತ್ರಿಕ ಮತ್ತು ಲೆಕ್ಕಪತ್ರ ಶಾಖೆಯ ತನಿಖಾಧಿಕಾರಿ ಟಿ.ಸಿ. ಜಯರಾಮಯ್ಯ ಅವರು ತನಿಖಾ ವೇಳಾಪಟ್ಟಿ ಸಿದ್ಧಪಡಿಸಿದ್ದಾರೆ. ಜುಲೈ 7 ರಂದು ಬೆಳಗ್ಗೆ 11.30ಕ್ಕೆ ದಾವಣಗೆರೆ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ತನಿಖಾ ಪ್ರಕ್ರಿಯೆ ಆರಂಭವಾಗಿದ್ದು, ಜುಲೈ 10 ರವರೆಗೆ ಸರಣಿ ದಾಖಲೆಗಳ ಪರಿಶೀಲನೆ ನಡೆಯಲಿದೆ. ಸ್ಥಳ ತನಿಖೆಯ ಸಂದರ್ಭದಲ್ಲಿ ಖುದ್ದಾಗಿ ಹಾಜರಿದ್ದು, ಪೂರಕ ದಾಖಲೆಗಳೊಂದಿಗೆ ಸಹಕರಿಸುವಂತೆ ದೂರುದಾರರಿಗೂ ನೋಟಿಸ್ ನೀಡಲಾಗಿದೆ.

​ಜಿಲ್ಲೆಯ ಪ್ರಭಾವಿ ಅಧಿಕಾರಿಗಳೇ ಲೋಕಾಯುಕ್ತ ತನಿಖೆಯ ಬಿಸಿಗೆ ಸಿಲುಕಿರುವುದು ಆಡಳಿತ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮತದಾರರ ಪಟ್ಟಿ ಪರಿಷ್ಕರಣೆ | ಪ್ರತಿಯೊಬ್ಬರ ಮನೆಬಾಗಿಲಿಗೆ ತಲುಪಲಿವೆ ಫಾರಂಗಳು ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ 

Published

on

ಸುದ್ದಿದಿನ,ದಾವಣಗೆರೆ: ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕವಾಗಿ ಮತ್ತು ವ್ಯವಸ್ಥಿತವಾಗಿ ನಡೆಸಲಾಗುತ್ತಿದ್ದು, ಸಾರ್ವಜನಿಕರು ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಅವರು ತಿಳಿಸಿದರು.

ಅವರು ಸೋಮವಾರ, ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕುರಿತು ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಜಿಲ್ಲೆಯಲ್ಲಿ ಎಲ್ಲೂ ಕೂಡ ಸಾಮೂಹಿಕವಾಗಿ ಫಾರಂ ವಿತರಣೆ ಮಾಡುತ್ತಿಲ್ಲ ಮತ್ತು ಮಾಡುವುದೂ ಇಲ್ಲ, ಕೆಲವು ಬೂತ್‌ಗಳಲ್ಲಿ ಸಾರ್ವಜನಿಕರೇ ಗುಂಪುಗೂಡಿ ಇಲ್ಲೇ ಫಾರಂ ನೀಡಿ ಎಂದು ಕೇಳಿರುವ ಉದಾಹರಣೆಗಳು ಇವೆಯೇ ಹೊರತು, ಇಲಾಖೆಯಿಂದ ಸಾಮೂಹಿಕ ವಿತರಣೆ ನಡೆದಿಲ್ಲ ಎಂದರು.

ಪ್ರತಿಯೊಬ್ಬ ಬೂತ್ ಮಟ್ಟದ ಅಧಿಕಾರಿಗಳಿಗೆ ಈಗಾಗಲೇ ಲಿಖಿತ ಸೂಚನೆ ಹಾಗೂ ಸೂಕ್ತ ತರಬೇತಿಯನ್ನು ನೀಡಲಾಗಿದೆ. ಅವರು ಕಡ್ಡಾಯವಾಗಿ ಪ್ರತಿಯೊಬ್ಬರ ಮನೆ ಮನೆಗೆ ಭೇಟಿ ನೀಡಿ ಫಾರಂಗಳನ್ನು ವಿತರಿಸುವರು. ಭೇಟಿ ನೀಡಿದ ನಂತರ ಮನೆಯ ಬಾಗಿಲಿನ ಮೇಲೆ ಕಡ್ಡಾಯವಾಗಿ ಸ್ಟಿಕ್ಕರ್ ಅಂಟಿಸಬೇಕೆಂದು ಆದೇಶಿಸಲಾಗಿದೆ. ಹಳ್ಳಿಗಳಲ್ಲಿ ಹಾಗೂ ಕೆಲವು ಕಡೆ ಸಾರ್ವಜನಿಕರು ತಮ್ಮ ಫಾರಂಗಳನ್ನು ಬೇಗ ಮಾಡಿಕೊಡಿ ಎಂದು ಬಿ.ಎಲ್.ಓಗಳ ಬಳಿ ಗುಂಪುಗೂಡುತ್ತಿರುವುದು ಕಂಡುಬಂದಿದೆ. ಆದರೆ, ಇನ್ನು ಮುಂದೆ ಹೀಗಾಗದಂತೆ ಎಚ್ಚರಿಕೆ ವಹಿಸಲು ನಮ್ಮ ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಗೂ ಸಂಪೂರ್ಣ ತಂಡವು ಬಿ.ಎಲ್.ಓ.ಗಳಿಗೆ ನೆರವಾಗಲಿದ್ದಾರೆ ಎಂದು ತಿಳಿಸಿದರು.

ಸಾರ್ವಜನಿಕರ ಅನುಕೂಲಕ್ಕಾಗಿ ದಕ್ಷಿಣ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಒಟ್ಟು 40 ಸಹಾಯ ಕೇಂದ್ರಗಳನ್ನು ತೆರೆಯಲಾಗಿದೆ. ಸಾರ್ವಜನಿಕರು ನೇರವಾಗಿ ಈ ಸಹಾಯ ಕೇಂದ್ರಗಳಿಗೆ ಭೇಟಿ ನೀಡಿ ತಮ್ಮ ಫಾರಂಗಳನ್ನು ಭರ್ತಿ ಮಾಡಿಕೊಳ್ಳಬಹುದು. ಭರ್ತಿ ಮಾಡಿದ ಫಾರಂಗಳನ್ನು ಕಡ್ಡಾಯವಾಗಿ ಬಿ.ಎಲ್.ಓ.ಗಳಿಗೆ ಹಸ್ತಾಂತರಿಸಬೇಕು ಎಂದರು
ರಾಷ್ಟ್ರೀಯ ಪಕ್ಷಗಳಿಂದ ನೇಮಕಗೊಂಡಿರುವ ಬಿ.ಎಲ್.ಎ (ಬೂತ್ ಮಟ್ಟದ ಏಜೆಂಟ್‌ಗಳು) ಸಾರ್ವಜನಿಕರಿಗೆ ಫಾರಂ ಭರ್ತಿ ಮಾಡಲು ಸಹಾಯ ಮಾಡಬಹುದು. ಅವರು ಮೊದಲ ಹಂತದಲ್ಲಿ ತಲಾ 50 ಫಾರಂಗಳನ್ನು ಸಂಗ್ರಹಿಸಿ, ಭರ್ತಿ ಮಾಡಿ ನಮ್ಮ ಬಿ.ಎಲ್.ಓ.ಗಳಿಗೆ ತಂದುಕೊಡಲು ಅವಕಾಶ ಕಲ್ಪಿಸಲಾಗಿದೆ. ಇದು ಗುಂಪಾಗಿ ಮಾಡುವುದಲ್ಲ, ಬದಲಿಗೆ ಮನೆ ಮನೆಗೆ ಹೋಗಿ ಬಿ.ಎಲ್.ಓಗಳ ಸಹಯೋಗದೊಂದಿಗೆ ಮಾಡುವ ಕಾರ್ಯವಾಗಿದೆ ಎಂದರು.

ಸಹಿ ಮಾಡುವ ಪ್ರಕ್ರಿಯೆಯು ಮತದಾರರದ್ದೇ ಆಗಿರುತ್ತದೆ. ಮೊಬೈಲ್ ಬಳಸಲು ಬಾರದ ಅನಕ್ಷರಸ್ಥರಿಗೆ ಅಥವಾ ತಾಂತ್ರಿಕ ತೊಂದರೆ ಇರುವವರಿಗೆ ಬಿ.ಎಲ್.ಓ ಹಾಗೂ ಬಿ.ಎಲ್.ಎ.ಗಳು ಸಹಾಯ ಮಾಡಲಿದ್ದಾರೆ. ಭಾರತೀಯ ಚುನಾವಣಾ ಆಯೋಗದ ನಿರ್ದೇಶನದ ಅಡಿಯಲ್ಲೇ ನಮ್ಮ ಇಡೀ ತಂಡ ಕೆಲಸ ಮಾಡುತ್ತಿದೆ ಎಂದರು.

ಒಂದೇ ಕ್ಷೇತ್ರದ ವ್ಯಾಪ್ತಿಯಲ್ಲಿ ಮನೆ ಶಿಫ್ಟ್ ಮಾಡಿಕೊಂಡಿರುವ ಮತದಾರರು, ತಮ್ಮ ಹೆಸರು ಕೈಬಿಟ್ಟು ಹೋಗುವ ಆತಂಕ ಪಡಬೇಕಾಗಿಲ್ಲ. ಅಂತಹ ಮತದಾರರು ‘ಫಾರಂ-8’ ಅನ್ನು ಸಲ್ಲಿಸುವ ಮೂಲಕ ತಮ್ಮ ವಿಳಾಸವನ್ನು ಸುಲಭವಾಗಿ ಬದಲಾಯಿಸಿಕೊಳ್ಳಬಹುದು ಎಂದರು.

ಈಗಾಗಲೇ ಮ್ಯಾಪಿಂಗ್ ಆಗಿರುವ ಮತದಾರರು ಯಾವುದೇ ದಾಖಲೆಗಳನ್ನು ನೀಡುವ ಅಗತ್ಯವಿರುವುದಿಲ್ಲ. ಒಂದು ವೇಳೆ ತಪ್ಪಾಗಿ ಮ್ಯಾಪಿಂಗ್ ಆಗಿದ್ದರೆ ಅಥವಾ ತಂದೆ-ತಾಯಿಯ ಹೆಸರುಗಳಲ್ಲಿ ತಪ್ಪುಗಳಾಗಿದ್ದರೆ, 2002ರ ಹಳೆಯ ವೋಟರ್ ಐಡಿ ವಿವರಗಳ ಆಧಾರದ ಮೇಲೆ ಬಿ.ಎಲ್.ಓ ಮೊಬೈಲ್ ಆಪ್ (BLO Mobile App) ಮೂಲಕ ತಿದ್ದುಪಡಿ ಹಾಗೂ ವರ್ಗಾವಣೆಗೆ ಅವಕಾಶ ಮಾಡಿಕೊಡಲಾಗಿದೆ ಎಂದು ತಿಳಿಸಿದರು.

18 ವರ್ಷ ತುಂಬಿರುವ ಅರ್ಹ ಯುವ ಮತದಾರರು ಹೊಸದಾಗಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ನಿಗದಿಪಡಿಸಿದ ಫಾರಂಗಳನ್ನು ಪಡೆದು ಭರ್ತಿ ಮಾಡಬಹುದಾಗಿದೆ. ಇದಕ್ಕಾಗಿ ಸಾರ್ವಜನಿಕರು ಯಾರೂ ಮತಗಟ್ಟೆಗಳನ್ನಾಗಲಿ ಅಥವಾ ಬಿ.ಎಲ್.ಓಗಳನ್ನಾಗಲಿ ಹುಡುಕಿಕೊಂಡು ಹೋಗುವ ಅಗತ್ಯವಿಲ್ಲ, ನಾವೇ ನಿಮ್ಮ ಮನೆ ಬಾಗಿಲಿಗೆ ಬರುತ್ತೇವೆ ಎಂದು ತಿಳಿಸಿದರು.

ಅನಾಥಾಶ್ರಮಗಳಲ್ಲಿರುವ ಹಾಗೂ ತಂದೆ-ತಾಯಿಯರ ಮಾಹಿತಿ ಇಲ್ಲದವರಿಗೂ ಸಹ ಮತದಾನದ ಹಕ್ಕನ್ನು ಕಲ್ಪಿಸಲು ಚುನಾವಣಾ ಆಯೋಗವು ವಿಶೇಷ ಕ್ರಮ ಕೈಗೊಂಡಿದೆ. ಸರ್ಕಾರಿ ಅನಾಥಾಶ್ರಮವೊಂದರಲ್ಲಿರುವ 43 ಯುವಕರು 2025ನೇ ಇಸವಿಯಲ್ಲೂ ಮತದಾರರ ಪಟ್ಟಿಯಲ್ಲಿದ್ದಾರೆ. ಇಂತಹ ಸಂದರ್ಭಗಳಲ್ಲಿ ಸರ್ಕಾರವೇ ಅವರಿಗೆ ಪೋಷಕರಾಗಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರೆ ಅವರ ಅಧಿಕೃತ ಪೋಷಕರಾಗಿರುತ್ತಾರೆ ಎಂದರು.

ದೇವದಾಸಿಯರಂತಹ ಪ್ರಕರಣಗಳಲ್ಲಿ ತಂದೆಯ ವಿವರಗಳು ಲಭ್ಯವಿಲ್ಲದಿದ್ದರೆ, ತಾಯಿಯ ವಿವರಗಳನ್ನು ನೀಡಿ ಹೆಸರು ನಮೂದಿಸಲು ಅವಕಾಶವಿದೆ. ಇನ್ನು ಕೆಲವು ಸಂದರ್ಭಗಳಲ್ಲಿ ತಂದೆ-ತಾಯಿ ಇಬ್ಬರೂ ಇಲ್ಲದಿದ್ದರೆ, ಅಂತವರು ತಮ್ಮ ಅಜ್ಜ ಅಥವಾ ಅಜ್ಜಿಯ ಹೆಸರನ್ನು ಸಂಬಂಧದ ಕಾಲಂನಲ್ಲಿ ನಮೂದಿಸಿ ಗುರುತಿಸಿಕೊಳ್ಳಲು ಅವಕಾಶ ಮಾಡಿಕೊಡಲಾಗಿದೆ ಎಂದು ತಿಳಿಸಿದರು.

ಚುನಾವಣಾ ಆಯೋಗವು ಇಂತಹ ಎಲ್ಲಾ ಸವಾಲುಗಳಿಗೂ ಕಾನೂನಾತ್ಮಕವಾಗಿ ಹಾಗೂ ecinet ಮೊಬೈಲ್ ಆಪ್ ಮತ್ತು https://voters.eci.gov.in ಮೂಲಕ ಸೂಕ್ತ ಪರಿಹಾರವನ್ನು ಕಲ್ಪಿಸಿದೆ. ಹೀಗಾಗಿ ಯಾವುದೇ ಮತದಾರರು ಆತಂಕ ಪಡುವ ಅಗತ್ಯವಿಲ್ಲ. ಬಿ.ಎ.ಲ್.ಓ ಗಳು ಮನೆಗೆ ಬಂದಾಗ ಅಥವಾ ದೂರವಾಣಿ ಮೂಲಕ ಸಂಪರ್ಕಿಸಿದಾಗ ಸಾರ್ವಜನಿಕರು ಸ್ಪಂದಿಸಿ, ಮಾಹಿತಿ ನೀಡಬೇಕು ಎಂದು ತಿಳಿಸಿದರು.

ಫಾರಂ ಹಂಚಿಕೆಯಲ್ಲಿ ರಾಜ್ಯದಲ್ಲೇ ದಾವಣಗೆರೆ ಜಿಲ್ಲೆಗೆ 2ನೇ ಸ್ಥಾನ; ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ
ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯು ಅತ್ಯಂತ ಯಶಸ್ವಿಯಾಗಿ ಪ್ರಗತಿಯಲ್ಲಿದ್ದು, ಜಿಲ್ಲಾದ್ಯಂತ ಒಟ್ಟಾರೆ ಶೇ. 94 ರಷ್ಟು ಎನ್ಯುಮರೇಷನ್ ಫಾರ್ಮ್‌ಗಳನ್ನು (Enumeration Forms) ಫಾರಂಗಳನ್ನು ಹಂಚಿಕೆ ಮಾಡುವ ಮೂಲಕ ದಾವಣಗೆರೆ ಜಿಲ್ಲೆಯು ರಾಜ್ಯದಲ್ಲಿಯೇ 2ನೇ ಸ್ಥಾನ ಪಡೆದು ಅಭೂತಪೂರ್ವ ಸಾಧನೆ ಮಾಡಿದೆ. ಇದೇ ವೇಳೆ ಜಿಲ್ಲೆಯ ಮಾಯಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಶೇ. 99.81 ರಷ್ಟು ದಾಖಲೆ ಪ್ರಮಾಣದ ಎನ್ಯುಮರೇಷನ್ ಫಾರ್ಮ್‌ಗಳನ್ನು (Enumeration Forms) ಪಾರಂಗಳನ್ನು ಅತ್ಯಂತ ಯಶಸ್ವಿಯಾಗಿ ಹಂಚಿಕೆ ಮಾಡಲಾಗಿದ್ದು, ಇಡೀ ರಾಜ್ಯದಲ್ಲಿಯೇ ಪ್ರಥಮ ಸ್ಥಾನವನ್ನು ಮುಡಿಗೇರಿಸಿಕೊಂಡಿದೆ. ಹಾಗೂ ಶೇ. 10.8 ರಷ್ಟು ಗಣಕೀಕರಣವಾಗಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಮನೆ ಮನೆ ಭೇಟಿ ಹಾಗೂ ಮಾಹಿತಿ ಸಂಗ್ರಹ ಪ್ರಗತಿಯಲ್ಲಿ

ದಾವಣಗೆರೆ ಜಿಲ್ಲೆಯಲ್ಲಿ ಜೂನ್‌ 16 ರ ವೇಳೆಗೆ ಒಟ್ಟು 14,99,282 ಮತದಾರರಿದ್ದು, ಇವರಿಗೆ ಸಂಬಂಧಿಸಿದ ಎನ್ಯುಮರೇಷನ್ ಫಾರ್ಮ್‌ಗಳನ್ನು (Enumeration Forms) ಮುದ್ರಿಸಿ ಬಿಎಲ್‌ಓಗಳಿಗೆ ವಿತರಿಸಲಾಗಿದೆ. ಜಿಲ್ಲಾದ್ಯಂತ ಜೂನ್‌ 06 ರಿಂದ ಜುಲೈ 29 ರ ಅವಧಿಯಲ್ಲಿ ಬಿಎಲ್‌ಓಗಳು ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುತ್ತಿದ್ದು, ಇದೇ ಅವಧಿಯಲ್ಲಿ ಸಂಗ್ರಹಿಸಿದ ನಮೂನೆಗಳ ಗಣಕೀಕರಣ ಕಾರ್ಯವೂ ಪ್ರಗತಿಯಲ್ಲಿದೆ.

ವಿಧಾನಸಭಾ ಕ್ಷೇತ್ರವಾರು ಹಂಚಿಕೆ ಮತ್ತು ಪ್ರಗತಿ ವಿವರ

ಜಿಲ್ಲೆಯ ಒಟ್ಟು 14,99,282 ಮತದಾರರ ಪೈಕಿ ಬಿಎಲ್‌ಓಗಳು ಇದುವರೆಗೆ ಒಟ್ಟು 14,06,472 ಎನ್ಯುಮರೇಷನ್ ನಮೂನೆಗಳನ್ನು ವಿತರಿಸಿದ್ದು, 1,54,504 ನಮೂನೆಗಳನ್ನು ಗಣಕೀಕರಿಸಿದ್ದಾರೆ.

103-ಜಗಳೂರು: ಒಟ್ಟು 2,00,836 ಮತದಾರರಿದ್ದು, 1,88,446 ನಮೂನೆಗಳನ್ನು ವಿತರಿಸಲಾಗಿದ್ದು, 18,003 ನಮೂನೆಗಳನ್ನು ಗಣಕೀಕರಿಸಲಾಗಿದೆ. 105-ಹರಿಹರ: ಒಟ್ಟು 2,11,023 ಮತದಾರರಿದ್ದು, 2,06,550 ನಮೂನೆಗಳನ್ನು ವಿತರಿಸಲಾಗಿದ್ದು, 32,630 ನಮೂನೆಗಳನ್ನು ಗಣಕೀಕರಿಸಲಾಗಿದೆ. 106-ದಾವಣಗೆರೆ ಉತ್ತರ: ಒಟ್ಟು 2,58,718 ಮತದಾರರಿದ್ದು, 2,44,948 ನಮೂನೆಗಳನ್ನು ವಿತರಿಸಲಾಗಿದ್ದು, 7,120 ನಮೂನೆಗಳನ್ನು ಗಣಕೀಕರಿಸಲಾಗಿದೆ. 107-ದಾವಣಗೆರೆ ದಕ್ಷಿಣ : ಒಟ್ಟು 2,27,996 ಮತದಾರರಿದ್ದು, 194,785 ನಮೂನೆಗಳನ್ನು ವಿತರಿಸಲಾಗಿದ್ದು, 5,085 ನಮೂನೆಗಳನ್ನು ಗಣಕೀಕರಿಸಲಾಗಿದೆ. 108-ಮಾಯಕೊಂಡ: ಒಟ್ಟು 197,048 ಮತದಾರರಿದ್ದು, 196,486 ನಮೂನೆಗಳನ್ನು ವಿತರಿಸಲಾಗಿದ್ದು, 42,785 ನಮೂನೆಗಳನ್ನು ಗಣಕೀಕರಿಸಲಾಗಿದೆ. 109-ಚನ್ನಗಿರಿ ಒಟ್ಟು 2,03,628 ಮತದಾರರಿದ್ದು, 192,838 ನಮೂನೆಗಳನ್ನು ವಿತರಿಸಲಾಗಿದ್ದು, 36,531 ನಮೂನೆಗಳನ್ನು ಗಣಕೀಕರಿಸಲಾಗಿದೆ. 110- ಹೊನ್ನಾಳಿ ಒಟ್ಟು 2,00,033 ಮತದಾರರಿದ್ದು, 182,419 ನಮೂನೆಗಳನ್ನು ವಿತರಿಸಲಾಗಿದ್ದು, 12,350 ನಮೂನೆಗಳನ್ನು ಗಣಕೀಕರಿಸಲಾಗಿದೆ.

ಸ್ಥಳಾಂತರ, ಮರಣ ಹಾಗೂ ದ್ವಿಪ್ರತಿ ಮತದಾರರ ಗುರುತಿಸುವಿಕೆ ಪ್ರಗತಿ

ಜೂನ್‌ 6 ರಿಂದ ಜಿಲ್ಲೆಯಲ್ಲಿ ಮತದಾರರ ಎನ್ಯುಮರೇಷನ್ ಫಾರ್ಮ್ಸ್ ಹಂಚಿಕೆ ಹಾಗೂ ಮಾಹಿತಿ ಸಂಗ್ರಹಣೆಯ ವೇಳೆ ಒಟ್ಟು 1,707 ವಿವಿಧ ಪ್ರಕರಣಗಳನ್ನು ಗುರುತಿಸಲಾಗಿದೆ. ಇದರಲ್ಲಿ ಒಟ್ಟು 30 ನಮೂನೆಗಳು ಸಂಗ್ರಹವಾಗದ/ಗೈರು ಹಾಜರಿ ಪ್ರಕರಣಗಳಾಗಿದ್ದು, 641 ಶಾಶ್ವತ ವಲಸೆ, 751 ಮರಣ ಹಾಗೂ 271 ದ್ವಿಪ್ರತಿ (Duplicate) ಪ್ರಕರಣಗಳಾಗಿವೆ.
ಜಗಳೂರು ಕ್ಷೇತ್ರದಲ್ಲಿ 122 ಪ್ರಕರಣಗಳನ್ನು ಗುರುತಿಸಲಾಗಿದ್ದು (2 ಗೈರು, 31 ಶಾಶ್ವತ ವಲಸೆ, 47 ಮರಣ, 40 ದ್ವಿಪ್ರತಿ, 2 ಇತರೆ), ಹರಿಹರ ಕ್ಷೇತ್ರದಲ್ಲಿ 149 ಪ್ರಕರಣಗಳು (2 ಗೈರು, 48 ಶಾಶ್ವತ ವಲಸೆ, 71 ಮರಣ, 26 ದ್ವಿಪ್ರತಿ, 2 ಇತರೆ), ದಾವಣಗೆರೆ ಉತ್ತರ ಕ್ಷೇತ್ರದಲ್ಲಿ 246 ಪ್ರಕರಣಗಳು (5 ಗೈರು, 98 ಶಾಶ್ವತ ವಲಸೆ, 112 ಮರಣ, 31 ದ್ವಿಪ್ರತಿ), ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ 235 ಪ್ರಕರಣಗಳು (6 ಗೈರು, 123 ಶಾಶ್ವತ ವಲಸೆ, 60 ಮರಣ, 44 ದ್ವಿಪ್ರತಿ, 2 ಇತರೆ), ಮಾಯಕೊಂಡ ಕ್ಷೇತ್ರದಲ್ಲಿ 337 ಪ್ರಕರಣಗಳು (4 ಗೈರು, 113 ಶಾಶ್ವತ ವಲಸೆ, 174 ಮರಣ, 45 ದ್ವಿಪ್ರತಿ,1 ಇತರೆ), ಚನ್ನಗಿರಿ ಕ್ಷೇತ್ರದಲ್ಲಿ 386 ಪ್ರಕರಣಗಳು (10 ಗೈರು, 139 ಶಾಶ್ವತ ವಲಸೆ, 167 ಮರಣ, 63 ದ್ವಿಪ್ರತಿ, 7 ಇತರೆ) ಹಾಗೂ ಹೊನ್ನಾಳಿ ಕ್ಷೇತ್ರದಲ್ಲಿ ಒಟ್ಟು 232 ಪ್ರಕರಣಗಳ (1 ಗೈರು, 89 ಶಾಶ್ವತ ವಲಸೆ, 120 ಮರಣ, 22 ದ್ವಿಪ್ರತಿ) ಗುರುತಿಸಿದೆ ಎಂದು ತಿಳಿಸಿದರು.

ಪತ್ರಿಕಾ ಗೋಷ್ಠಿಗೂ ಮುನ್ನ ವಿವಿಧ ರಾಷ್ಟ್ರೀಯ ಪಕ್ಷಗಳೊಂದಿಗೆ ಸಭೆ ನಡೆಸಿದ್ದು, ರಾಷ್ಟ್ರೀಯ ಪಕ್ಷಗಳು ಮತದಾರರ ಪಟ್ಟಿ ಪರಿಷ್ಕರಣೆಗೆ ಬಿ.ಎಲ್.ಎ ಗಳನ್ನು ನೇಮಕ ಮಾಡಿದ್ದು ಎನ್ಯುಮರೇಷನ್ ಫಾರ್ಮ್‌ಗಳನ್ನು (Enumeration Forms) ಪಾರಂಗಳನ್ನು ನಮೂದಿಸಿ ಬಿ.ಎಲ್.ಓ ಗಳಿಗೆ ನೀಡಲು ಮತ್ತು ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಕಾರ್ಯದಲ್ಲಿ ರಾಷ್ಟ್ರೀಯ ಪಕ್ಷಗಳು ಸಹಕಾರ ನೀಡುವುದಾಗಿ ತಿಳಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್‌, ಉಪ ಕಾರ್ಯದರ್ಶಿ ಮಮತ ಹಸ ಗೌಡರ್‌, ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್‌, ಪಾಲಿಕೆ ಆಯುಕ್ತ ಮಹಾಂತೇಶ್‌ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ23 hours ago

ಮಾಠಾಧೀಶರ ಮೇಲೆ ಹಲ್ಲೆ ; ನಿರ್ಲಕ್ಷಿಸಿದರೆ ದುಷ್ಕೃತ್ಯ ಹೆಚ್ಚಳ ಸಂಭವ; ಕಠಿಣ ಕ್ರಮಕ್ಕೆ ಎಚ್.ಆಂಜನೇಯ ಆಗ್ರಹ

ಸುದ್ದಿದಿನ,ಚಿತ್ರದುರ್ಗ: ಹರಳಯ್ಯ ಮಠದ ಸ್ವಾಮೀಜಿ ಮೇಲೆ ಮಾರಾಣಾಂತಿಕ ಹಲ್ಲೆಯನ್ನು ನಿರ್ಲಕ್ಷ್ಯ ವಹಿಸಿದರೆ ಮುಂದಿನ ದಿನಗಳಲ್ಲಿ ಮಠಾಧೀಶರ ಮೇಲೆ ಇಂತಹ ದುಷ್ಕೃತ್ಯ ಹೆಚ್ಚಾಗಬಹುದು ಎಂದು ಮಾಜಿ ಸಚಿವ ಎಚ್.ಆಂಜನೇಯ...

ದಿನದ ಸುದ್ದಿ3 days ago

ದಾವಣಗೆರೆ | ತಾಪಂ ಅನುದಾನ ದುರುಪಯೋಗ: ಮೂವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ತನಿಖೆ ಚುರುಕು

ಮುಖ್ಯಾಂಶಗಳು ​ ಟೆಂಡರ್ ಇಲ್ಲದೆ ಸಾಮಗ್ರಿ ಖರೀದಿ ಆರೋಪ ​ಜುಲೈ 10ರ ವರೆಗೆ ಸ್ಥಳ ಪರಿಶೀಲನೆ, ದಾಖಲೆಗಳ ತಪಾಸಣೆ ತನಿಖಾಧಿಕಾರಿಗಳ ಮುಂದೆ ಹಾಜರಾಗಲು ದೂರುದಾರರಿಗೆ ನೋಟಿಸ್ ಸುದ್ದಿದಿನ,​ದಾವಣಗೆರೆ:...

ದಿನದ ಸುದ್ದಿ4 days ago

ಮತದಾರರ ಪಟ್ಟಿ ಪರಿಷ್ಕರಣೆ | ಪ್ರತಿಯೊಬ್ಬರ ಮನೆಬಾಗಿಲಿಗೆ ತಲುಪಲಿವೆ ಫಾರಂಗಳು ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ 

ಸುದ್ದಿದಿನ,ದಾವಣಗೆರೆ: ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕವಾಗಿ ಮತ್ತು ವ್ಯವಸ್ಥಿತವಾಗಿ ನಡೆಸಲಾಗುತ್ತಿದ್ದು, ಸಾರ್ವಜನಿಕರು ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ...

ದಿನದ ಸುದ್ದಿ5 days ago

ಚನ್ನಗಿರಿ | ಲವ್ ಮ್ಯಾರೇಜ್ ; ಪೊಲೀಸ್ ಠಾಣೆ ಆವರಣದಲ್ಲೇ ಯುವಕನಿಗೆ ಚಾಕು ಇರಿತ

ಸುದ್ದಿದಿನ,ದಾವಣಗೆರೆ: ಪ್ರೀತಿಸಿ ವಿವಾಹವಾಗಿದ್ದ ದಂಪತಿ ಜೀವಭಯದಿಂದ ಪೊಲೀಸ್ ರಕ್ಷಣೆ ಕೋರಿ ಠಾಣೆಗೆ ಬಂದಿದ್ದ ವೇಳೆ, ಯುವಕನ ಮೇಲೆ ಚಾಕುವಿನಿಂದ ಹಲ್ಲೆ ನಡೆದ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ...

ಅಂಕಣ1 week ago

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ....

ದಿನದ ಸುದ್ದಿ1 week ago

ದಾವಣಗೆರೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: ಮನೆ ಮನೆಗೆ ಬಿಎಲ್‍ಒಗಳ ಭೇಟಿ ಪ್ರಾರಂಭ

ಸುದ್ದಿದಿನ,ದಾವಣಗೆರೆ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ದಾವಣಗೆರೆ ಜಿಲ್ಲೆಯಾದ್ಯಂತ ‘ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಎಸ್.ಐ.ಆರ್. ಪ್ರಕ್ರಿಯೆ ಅತ್ಯಂತ ಚುರುಕಿನಿಂದ ಸಾಗುತ್ತಿದೆ. ಜಿಲ್ಲೆಯ ಒಟ್ಟು 7 ವಿಧಾನಸಭಾ...

ದಿನದ ಸುದ್ದಿ1 week ago

ಕುಂದುವಾಡದಲ್ಲಿ ದೂಡಾ ಹೊಸ ಬಡಾವಣೆ ನಿರ್ಮಾಣ ಯೋಜನೆ ಕೈ ಬಿಡಲು ರೈತರ ಆಗ್ರಹ | ವಸತಿ ಯೋಜನೆ ಕೈ ಬಿಡಿ ಎಂದು ದೂಡಾಗೆ ಸೂಚಿಸಿದ ನಗರಾಭಿವೃದ್ದಿ ಸಚಿವ ಯತೀಂದ್ರ ಸಿದ್ದರಾಮಯ್ಯ

ಸುದ್ದಿದಿನ,ದಾವಣಗೆರೆ : ನಗರದ ಹಳೇ ಕುಂದುವಾಡದಲ್ಲಿ ದೂಡಾದಿಂದ ನಿರ್ಮಾಣ ಮಾಡಲು ಹೊರಟಿರುವ ವಸತಿ(ಹೊಸ ಲೇ ಔಟ್) ಯೋಜನೆಯನ್ನ ಈ ಕೂಡಲೇ ಕೈ ಬಿಡಬೇಕು ಎಂದು ರೈತರು ನಗರಾಭಿವೃದ್ದಿ...

ದಿನದ ಸುದ್ದಿ2 weeks ago

ಡಿ ಆರ್ ಆರ್ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ‘ಶೈಕ್ಷಣಿಕ ಪೀಠಿಕೆ ಕಾರ್ಯಕ್ರಮ’

ಸುದ್ದಿದಿನ,ದಾವಣಗೆರೆ: ನಗರದ ಡಿ ಆರ್ ಆರ್ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಪ್ರಥಮ ವರ್ಷದ ಹಾಗೂ ಲ್ಯಾಟರಲ್ ಎಂಟ್ರಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪೀಠಿಕೆ ಕಾರ್ಯಕ್ರಮವನ್ನು ಪ್ರಾಂಶುಪಾಲರಾದ ರಶ್ಮಿ ....

ದಿನದ ಸುದ್ದಿ2 weeks ago

ಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ

ಸುದ್ದಿದಿನ ಡೆಸ್ಕ್:ಬೆಂಗಳೂರಿನಲ್ಲಿ ಪ್ರೀತಿಯೊಂದು ರಕ್ತಸಿಕ್ತ ಅಂತ್ಯ ಕಂಡಿದೆ. ಮದುವೆಗೆ ನಿರಾಕರಿಸಿದ ಪ್ರೇಯಸಿಯನ್ನು ಪ್ರಿಯಕರನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ...

ದಿನದ ಸುದ್ದಿ2 weeks ago

ನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್‍ ಆಹ್ವಾನ

ಸುದ್ದಿದಿನ ಡೆಸ್ಕ್:ಸುಪ್ರಿಯಾನ್ವಿ ಪ್ರೊಡಕ್ಷನ್ಸ್ ಸಂಸ್ಥೆಯಡಿ ಪ್ರಿಯಾ ಸುದೀಪ್‍ ನಿರ್ಮಿಸಿದ ಮೊದಲ ಚಿತ್ರ ‘ಮ್ಯಾಂಗೋ ಪಚ್ಚ’. ಸಂಚಿತ್‍ ಸಂಜೀವ್‍ ಅಭಿನಯದ ಈ ಚಿತ್ರ ಹೆಚ್ಚು ಸದ್ದು ಮಾಡಲಿಲ್ಲ. ಈ...

Trending