ದಿನದ ಸುದ್ದಿ

ಜಮ್ಮು-ಕಾಶ್ಮೀರ | ನಾಳೆ ನಡೆಯಲಿರುವ ರಾಷ್ಟ್ರೀಯ ಪಂಚಾಯಿತಿ ರಾಜ್ ದಿನ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ

Published

on

ಸುದ್ದಿದಿನ ಡೆಸ್ಕ್ : ರಾಷ್ಟ್ರೀಯ ಪಂಚಾಯಿತಿ ರಾಜ್ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಪ್ರಧಾನಮಂತ್ರಿ ನರೇಂದ್ರ ಮೋದಿ ನಾಳೆ ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡಲಿದ್ದಾರೆ.

ದೇಶಾದ್ಯಂತ ಎಲ್ಲ ಗ್ರಾಮ ಸಭೆಗಳನ್ನುದ್ದೇಶಿಸಿ ಅವರು ಭಾಷಣ ಮಾಡಲಿದ್ದಾರೆ. ಅಲ್ಲದೆ ಸಾಂಬಾ ಜಿಲ್ಲೆಯ ಪಲ್ಲಿ ಪಂಚಾಯಿತಿಗೂ ಸಹ ಪ್ರಧಾನಿ ಭೇಟಿ ನೀಡಲಿದ್ದಾರೆ.

ಈ ಭೇಟಿಯ ಸಂದರ್ಭದಲ್ಲಿ ಅವರು, ಸುಮಾರು 20ಸಾವಿರ ಕೋಟಿ ರೂಪಾಯಿ ಮೊತ್ತದ ಹಲವು ಅಭಿವೃದ್ಧಿ ಉಪಕ್ರಮಗಳಿಗೆ ಶಿಲಾನ್ಯಾಸ ಹಾಗೂ ಉದ್ಘಾಟನೆ ನೆರವೇರಿಸಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಈ ಸಂದರ್ಭದಲ್ಲಿ ಸುಮಾರು3 ಸಾವಿರದ 100ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಬನಿಹಾಲ್ ಕಾಜಿಗುಂಡ್ ಸುರಂಗ ಮಾರ್ಗವನ್ನು ಲೋಕಾರ್ಪಣೆಗೊಳಿಸಲಿದ್ದಾರೆ. 8.45 ಕಿಲೋಮೀಟರ್ ಉದ್ದದ ಈ ಸುರಂಗ ಮಾರ್ಗ ಬನಿಹಾಲ್ ಹಾಗೂ ಕಾಜಿಗುಂಡ್ ನಡುವೆ16 ಕಿಲೋಮೀಟರ್ನಷ್ಟು ದೂರವನ್ನು ತಗ್ಗಿಸಲಿದೆ. ಇದರಿಂದ ಪ್ರಯಾಣದ ಅವಧಿ ಒಂದೂವರೆ ಗಂಟೆ ಉಳಿತಾಯವಾಗಲಿದೆ.

ದೆಹಲಿ-ಅಮೃತಸರ-ಕತ್ರಾ ಎಕ್ಸ್ಪ್ರೆಸ್ ಹೆದ್ದಾರಿಯ ಮೂರು ರಸ್ತೆ ಪ್ಯಾಕೇಜ್ಗಳಿಗೆ ಶಿಲಾನ್ಯಾಸ ನೆರವೇರಿಸಲಿದ್ದು, ಈ ರಸ್ತೆಗಳನ್ನು 7ಸಾವಿರದ 500ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ. ಅಲ್ಲದೆ ದೇಶದ ಪ್ರತಿ ಜಿಲ್ಲೆಯಲ್ಲಿ 75ಕೆರೆಗಳ ಪುನಶ್ಚೇತನ ಹಾಗೂ ಅಭಿವೃದ್ಧಿ ಉದ್ದೇಶ ಹೊಂದಿರುವ ಅಮೃತ್ ಸರೋವರ್ ಉಪಕ್ರಮಕ್ಕೂ ಪ್ರಧಾನಿ ಚಾಲನೆ ನೀಡಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version