Connect with us

ದಿನದ ಸುದ್ದಿ

ಜನರ ಮನೆ ಬಾಗಿಲಲ್ಲೇ ಸರ್ಕಾರವಿದೆ : ಡಿಸಿ ಮಹಾಂತೇಶ್ ಬೀಳಗಿ

Published

on

ಸುದ್ದಿದಿನ,ದಾವಣಗೆರೆ : ಸರ್ಕಾರಿ ಯೋಜನೆಗಳ ಸವಲತ್ತುಗಳನ್ನು ಜನರ ಬಳಿಗೇ ತೆರಳಿ ವಿತರಣೆ ಮಾಡುವ ಮೂಲಕ, ಜನರ ಮನೆ ಬಾಗಿಲಲ್ಲೇ ಸರ್ಕಾರವಿದೆ ಎಂಬ ಭಾವನೆಯನ್ನು ಸಾರ್ವಜನಿಕರಲ್ಲಿ ಮೂಡಿಸುವ ಪ್ರಾಮಾಣಿಕ ಪ್ರಯತ್ನವನ್ನು ಜಿಲ್ಲಾಡಳಿತ ಮಾಡುತ್ತಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಹೇಳಿದರು.

ಜಗಳೂರು ತಾಲ್ಲೂಕಿನ ಬಿದರಕೆರೆ ಗ್ರಾಮದ ಗುರುಸಿದ್ದೇಶ್ವರ ಪ್ರೌಢಶಾಲೆ ಆವರಣದಲ್ಲಿ ಶನಿವಾರ ಏರ್ಪಡಿಸಲಾಗಿದ್ದ ಜಿಲ್ಲಾಧಿಕಾರಿಗಳ ನಡೆ-ಹಳ್ಳಿಯ ಕಡೆ, ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪಹಣಿ, ಪಿಂಚಣಿ, ಮಾಸಾಶನ, ವಿಕಲಚೇತನರ ಮಾಸಾಶನ ಸೇರಿದಂತೆ ಸರ್ಕಾರದ ವಿವಿಧ ಸವಲತ್ತುಗಳನ್ನು ವಿತರಿಸಲು ಜಿಲ್ಲಾಡಳಿತವೇ ಫಲಾನುಭವಿಗಳನ್ನು ಹುಡುಕಿ, ಅವರ ಮನೆಗೇ ತಲುಪಿಸುವಂತಹ ಕಾರ್ಯವನ್ನು ಪ್ರಾರಂಭಿಸಲಾಗಿದ್ದು, ಈ ನಿಟ್ಟಿನಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಪೂರಕವಾಗಿದೆ.

ಹಸಿವು ಎಂದರೆ ಏನು ಎಂದು ಅರಿಯದವರು,
ಶ್ರೀಮಂತಿಕೆಯಲ್ಲಿಯೇ ಹುಟ್ಟಿ ಬೆಳೆದವರು ಬಡತನ, ಹಸಿವು ಕುರಿತು ಉದ್ದುದ್ದ ಭಾಷಣ ಮಾಡುತ್ತಾರೆ, ಅಂತಹವರು ಹಸಿವು ನಿವಾರಣೆ ಕುರಿತಂತೆ ಪಿಹೆಚ್‍ಡಿ ಯನ್ನೂ ಕೂಡ ಪಡೆಯುತ್ತಾರೆ. ಹವಾನಿಯಂತ್ರಿತ ಕೊಠಡಿಯಲ್ಲಿ ಕುಳಿತುಕೊಂಡು ಆಡಳಿತ ನಡೆಸುವ ಕಾಲ ಈಗಿಲ್ಲ. ದೇಶದ ಆತ್ಮ ಹಳ್ಳಿಗಳಲ್ಲಿದೆ.

ಇದನ್ನು ಅರಿತೇ ಸರ್ಕಾರ ಗ್ರಾಮ ವಾಸ್ತವ್ಯದಂತಹ ಮಹತ್ವದ ಕಾರ್ಯಕ್ರಮವನ್ನು ಜಾರಿಗೊಳಿಸಿದ್ದು, ಕೇವಲ ಹಳ್ಳಿಗೆ ಬಂದು ಭಾಷಣ ಮಾಡಿ ಹೋಗುವುದು ಗ್ರಾಮವಾಸ್ತವ್ಯದ ಉದ್ದೇಶವಲ್ಲ. ಗ್ರಾಮ ವಾಸ್ತವ್ಯ ಮಾಡುವ ಗ್ರಾಮ ಸುತ್ತಮುತ್ತಲ ಸುಮಾರು ಐದಾರು ಹಳ್ಳಿಗಳಲ್ಲಿ, ಪ್ರತಿ ಮನೆ ಮನೆಗೆ ಅಧಿಕಾರಿ, ಸಿಬ್ಬಂದಿ ಭೇಟಿ ನೀಡಿ, ಪಿಂಚಣಿ, ಮಾಸಾಶನ, ವಿಕಲಚೇತನರ ಮಾಸಾಶನಕ್ಕೆ ಯಾರು ಅರ್ಹರಿದ್ದಾರೆ, ಅವರಿಗೆ ಸವಲತ್ತು ದೊರೆತಿದೆಯೇ ಇಲ್ಲವೆ, ಯೋಜನೆಗಾಗಿ ಯಾರು ಅರ್ಹ ಫಲಾನುಭವಿಗಳಿದ್ದಾರೆ ಎಂಬುದನ್ನು ಗುರುತಿಸಲು ಸರ್ವೆ ಮಾಡಿಸಲಾಗುತ್ತಿದೆ.

ಅರ್ಹರಿದ್ದೂ, ಸವಲತ್ತಿನಿಂದ ವಂಚಿತರಾಗಿದ್ದಲ್ಲಿ, ಅಂತಹವರಿಗೆ ಗ್ರಾಮ ವಾಸ್ತವ್ಯ ಸಂದರ್ಭದಲ್ಲಿ ಸೌಲಭ್ಯ ಮಂಜೂರು ಮಾಡಲಾಗುತ್ತಿದೆ. ಇವೆಲ್ಲವೂ ಮಧ್ಯವರ್ತಿಗಳ ಹಾವಳಿಯನ್ನು ತಪ್ಪಿಸಿ, ಅರ್ಹರಿಗೆ ಯೋಜನೆಯನ್ನು ತಲುಪಿಸುವ ಮೂಲಕ, ಜನರ ಮನೆ ಬಾಗಿಲಲ್ಲೇ ಸರ್ಕಾರವಿದೆ ಎಂಬ ಭಾವನೆಯನ್ನು ಸಾರ್ವಜನಿಕರಲ್ಲಿ ಮೂಡಿಸುವ ಯತ್ನ ಮಾಡುತ್ತಿದ್ದೇವೆ.

ಬಿದರಕೆರೆ ಗ್ರಾಮದಲ್ಲಿ ಮನೆ ಮನೆಗೆ ಭೇಟಿ ನೀಡಿ ಸುಮಾರು 12 ವಿಕಲಚೇತನ ಫಲಾನುಭವಿಗಳನ್ನು ಗುರುತಿಸಿ, ಅವರಿಗೆ ಮಾಸಾಶನ ಮಂಜೂರು ಮಾಡಿಸುವ ಕಾರ್ಯ ಮಾಡಿದ್ದೇವೆ. ಮನೆ ಮನೆ ಸಮೀಕ್ಷೆ ಸಂದರ್ಭದಲ್ಲಿ ವ್ಯಾಪ್ತಿಯಿಂದ ಹೊರಗುಳಿದವರೂ ಕೂಡ, ಗ್ರಾಮವಾಸ್ತವ್ಯ ಕಾರ್ಯಕ್ರಮ ಸಂದರ್ಭದಲ್ಲಿ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸುವ ವ್ಯವಸ್ಥೆಯನ್ನು ಕೂಡ ಮಾಡಿದ್ದೇವೆ. ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸರ್ಕಾರದ ಯೋಜನೆ ತಲುಪಿದಾಗ ಮಾತ್ರ ಇಂತಹ ಕಾರ್ಯಕ್ರಮಗಳ ಉದ್ದೇಶ ಈಡೇರಲು ಸಾಧ್ಯ.

ಕೋವಿಡ್ ಸೋಂಕು ನಿಯಂತ್ರಣ ಸಂದರ್ಭದಲ್ಲಿ ಜಿಲ್ಲೆಯ ಜನರು ಒಳ್ಳೆಯ ರೀತಿಯಲ್ಲಿ ಸಹಕರಿಸಿದ್ದಾರೆ. ಮುಂಬರುವ ತಿಂಗಳುಗಳಲ್ಲಿ ನಾಲ್ಕನೆ ಅಲೆ ಬರುತ್ತದೆ ಎಂಬ ಮಾತು ಕೇಳಿಬರುತ್ತಿದೆ. ಈಗಾಗಲೆ ಅರ್ಹರೆಲ್ಲರಿಗೂ ಕೋವಿಡ್ ನಿರೋಧಕ ಲಸಿಕೆ ನೀಡಲಾಗಿದೆ. ಎಷ್ಟೇ ಅಲೆ ಬಂದರೂ, ಜನರ ಸಹಕಾರವಿದ್ದಲ್ಲಿ, ಉತ್ತಮವಾಗಿ ನಿಭಾಯಿಸಲು ಜಿಲ್ಲಾಡಳಿತ ಸಿದ್ಧವಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಹೇಳಿದರು.

ಜಗಳೂರು ಶಾಸಕ ಎಸ್.ವಿ. ರಾಮಚಂದ್ರ ಅವರು ಮಾತನಾಡಿ, ಸರ್ಕಾರದಲ್ಲಿ ನಾನೂ ಒಬ್ಬ ಕೆಲಸಗಾರ, ಹೀಗಾಗಿ ಕ್ಷೇತ್ರದ ಜನರ ಒಳಿತಿಗಾಗಿ ನಿರಂತರವಾಗಿ ದುಡಿಯುತ್ತಿದ್ದೇನೆ. ಅಧಿಕಾರ ಶಾಶ್ವತವಲ್ಲ, ನಾವು ನೀಡುವ ಕಾರ್ಯಕ್ರಮಗಳು ಶಾಶ್ವತ. ಮುಖ್ಯಮಂತ್ರಿಗಳು ಏ. 29 ರಂದು ಜಗಳೂರು ಕ್ಷೇತ್ರಕ್ಕೆ ಆಗಮಿಸಲಿದ್ದು, ಅಂದು ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡುವರು.

57 ಕೆರೆಗಳನ್ನು ತುಂಬಿಸುವ ಯೋಜನೆ ಜೊತೆಗೆ 1236 ಕೋಟಿ ರೂ. ವೆಚ್ಚದ ಭದ್ರಾ ಮೇಲ್ದಂಡೆ ಯೋಜನೆಯ ಕಾಮಗಾರಿಗೂ ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದಾರೆ. ಇದರಲ್ಲಿ ಬಿದರಕೆರೆ ಗ್ರಾಮಕ್ಕೂ ನೀರು ಹರಿದುಬರುವಂತೆ ಯೋಜನೆ ರೂಪಿಸಲಾಗಿದೆ. ಮೂರು ಬಾರಿ ನನ್ನನ್ನು ಶಾಸಕನನ್ನಾಗಿ ಆಯ್ಕೆ ಮಾಡಿದ್ದು, ಕ್ಷೇತ್ರದ ಜನರ ಋಣ ತೀರಿಸುವುದು ನನ್ನ ಕರ್ತವ್ಯವಾಗಿದೆ ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚನ್ನಪ್ಪ ಮಾತನಾಡಿ, ಗ್ರಾಮ ವಾಸ್ತವ್ಯ ಕಾರ್ಯಕ್ರಮ ಸಂದರ್ಭದಲ್ಲಿ ನಿವೇಶನ, ಮನೆ ಸೌಲಭ್ಯ ನೀಡುವಂತೆ 100 ಕ್ಕೂ ಹೆಚ್ಚು ಜನ ಅರ್ಜಿ ಸಲ್ಲಿಸಿದ್ದಾರೆ. ನಿವೇಶನ ರಹಿತರ ಸಮೀಕ್ಷೆ ಕಾರ್ಯ ಕೈಗೊಂಡಿದ್ದು, ಗ್ರಾಮದಲ್ಲಿ 300 ಕ್ಕೂ ಹೆಚ್ಚು ನಿವೇಶನ ರಹಿತರನ್ನು ಗುರುತಿಸಲಾಗಿದೆ. ಇವರೆಲ್ಲರಿಗೂ ನಿವೇಶನ ನೀಡಲು ಸುಮಾರು 8 ಎಕರೆ ಭೂಮಿ ಅಗತ್ಯವಿದೆ. ಗ್ರಾಮ ವ್ಯಾಪ್ತಿಯಲ್ಲಿ ಸರ್ಕಾರಿ ಭೂಮಿ, ಗಾಂವಠಾಣವಾಗಲೀ ಇಲ್ಲ. ಯಾರಾದರೂ ಜಮೀನು ಮಾಲೀಕರು ಭೂಮಿ ನೀಡಲು ಮುಂದೆ ಬಂದರೆ, ಸರ್ಕಾರದ ದರಕ್ಕಿಂತ ದುಪ್ಪಟ್ಟು ಬೆಲೆ ನೀಡಿ, ಭೂಮಿ ಖರೀದಿಸಲು ನಿಗಮ ಸಿದ್ಧವಿದೆ ಎಂದರು.

ಉಪವಿಭಾಗಾಧಿಕಾರಿ ಮಮತಾ ಹೊಸಗೌಡರ್ ಮಾತನಾಡಿ, ಜನರು ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸುವ ಉದ್ದೇಶದಿಂದ ಕಾನೂನಿನ ವ್ಯಾಪ್ತಿಯಲ್ಲಿ ಸಮಸ್ಯೆಗಳನ್ನು ಬಗೆಹರಿಸುವ ಮತ್ತು ಜನಸ್ನೇಹಿ ಆಡಳಿತ ನೀಡುವ ನಿಟ್ಟಿನಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ವೃದ್ಯಾಪ್ಯ ವೇತನ, ಸಂಧ್ಯಾ ಸುರಕ್ಷಾ, ವಿಧವಾ ವೇತನಗಳನ್ನು ಅರ್ಹರಿಗೆ ತಲುಪಿಸಲಾಗುತ್ತಿದೆ. ಗ್ರಾಮಕ್ಕೆ ಸ್ಮಶಾನ ಸೌಲಭ್ಯ ವ್ಯವಸ್ಥೆ ಸೇರಿದಂತೆ ಹಲವಾರು ಸೌಲಭ್ಯಗಳನ್ನು ಒದಗಿಸಲು ಸೂಕ್ತ ಕ್ರಮ ಕೈಗೊಳ್ಳಲಾಗಿದೆ.

ಸರ್ಕಾರದ ಯೋಜನೆಗಳು ಯಾವ ರೀತಿ ಅನುಷ್ಠಾನವಾಗುತ್ತಿದೆ ಎಂಬುದನ್ನು ಪರಿಶೀಲಿಸಲು ಗ್ರಾಮ ವಾಸ್ತವ್ಯ ಸಹಕಾರಿಯಾಗಿದೆ ಎಂದು ಹೇಳಿದರು.
ಕಾರ್ಯಕ್ರಮದ ಅಂಗವಾಗಿ ವಿವಿಧ ಫಲಾನುಭವಿಗಳಿಗೆ ಸರ್ಕಾರದ ಸೌಲಭ್ಯಗಳ ಮಂಜೂರಾತಿ ಪತ್ರ, ಹಕ್ಕುಪತ್ರಗಳನ್ನು ವಿತರಿಸಲಾಯಿತು. ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಫಲಾನುಭವಿಗಳಿಗೆ ಉಚಿತ ಪಡಿತರ ವಿತರಿಸಲಾಯಿತು., 16 ಜನ ಈರುಳ್ಳಿ ಬೆಳೆಗಾರರಿಗೆ ಈರುಳ್ಳಿ ಶೇಖರಣಾ ಘಟಕ ಮಂಜೂರಾತಿ ಪತ್ರ ನೀಡಲಾಯಿತು.ಅಲ್ಲದೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಗರ್ಭಿಣಿಯರಿಗೆ ವೇದಿಕೆಯಲ್ಲಿಯೇ ಸೀಮಂತ ಕಾರ್ಯಕ್ರಮ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಪ್ರೇಮಲೀಲಾ, ಉಪವಿಭಾಗಾಧಿಕಾರಿ ಮಮತಾ ಹೊಸಗೌಡರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವಿಜಯಕುಮಾರ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ರೇಷ್ಮಾ ಕೌಸರ್, ತಹಸಿಲ್ದಾರ್ ಸಂತೋಷ್‍ಕುಮಾರ್, ತಾ.ಪಂ ಇ.ಒ ನರಸಿಂಹಮೂರ್ತಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ, ತಾಲ್ಲೂಕು ಮಟ್ಟದ ಅಧಿಕಾರಿಗಳು, ಗ್ರಾಮ ಪಂಚಾಯತಿ ಸದಸ್ಯರುಗಳು ಉಪಸ್ಥಿತರಿದ್ದರು.

ಕಾರ್ಯಕ್ರಮದ ಉದ್ಘಾಟನೆಗೂ ಮುನ್ನ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ನೇತೃತ್ವದ ಅಧಿಕಾರಿಗಳ ತಂಡಕ್ಕೆ ಗ್ರಾಮದಲ್ಲಿ 101 ಪೂರ್ಣಕುಂಭ ಹೊತ್ತ ಮಹಿಳೆಯರು, ಕಹಳೆ ವಾದನ, ಡೊಳ್ಳುವಾದನದ ಸಹಿತ ವೈಭವದ ಸ್ವಾಗತ ಕೋರಿದರು, ಅಲ್ಲದೆ ಎತ್ತಿನಗಾಡಿಯಲ್ಲಿ ಅಧಿಕಾರಿಗಳ ಮೆರವಣಿಗೆ ಸಾಗಿಬಂದಿತು. ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಕಲಾತಂಡಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದವು. ಬಳಿಕ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಗ್ರಾಮದ ವಿವಿಧೆಡೆ ಭೇಟಿ ನೀಡಿ ಜನರ ಅಹವಾಲುಗಳನ್ನು ಆಲಿಸಿದರು.

ಗ್ರಾಮದ ಸುನಂದಮ್ಮ, ಲಲಿತಮ್ಮ, ಮಾರಕ್ಕ ಎಂಬುವವರ ಮನೆಗೆ ಭೇಟಿ ನೀಡಿ, ಸರ್ಕಾರದ ಸೌಲಭ್ಯಗಳಾದ ಪಡಿತರ, ವೃದ್ಧಾಪ್ಯ ವೇತನ, ಕುಡಿಯುವ ನೀರು, ವಿಧವಾ ವೇತನ ಕುರಿತು ಮಾಹಿತಿ ಪಡೆದರು, ಸ್ಥಳದಲ್ಲೆಯಿದ್ದ ಗ್ರಾಮ ಲೆಕ್ಕಾಧಿಕಾರಿಗೆ ಇದುವರೆಗೂ ಸೌಲಭ್ಯ ಪಡೆಯದ ಅರ್ಹರನ್ನು ಗುರುತಿಸಿ ಕಂದಾಯ ಇಲಾಖೆಯ ಸೌಲಭ್ಯ ಒದಗಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.

ಗ್ರಾಮದ ಮತ್ತೋರ್ವ ನಿವಾಸಿ ಅನಸೂಯಮ್ಮ ಅವರ ಮನೆಗೆ ಭೇಟಿ ನೀಡಿ, ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸಕ್ಕೆ ಸೇರಿ ಪ್ರತಿದಿನ ರೂ. 309 ಕೂಲಿ ಪಡೆದು ಯೋಜನೆಯ ಸದುಪಯೋಗ ಪಡೆದುಕೊಳ್ಳಿ ಎಂದು ಜಿಲ್ಲಾ ಪಂಚಾಯಿತ್ ಸಿಇಒ ಸಲಹೆ ನೀಡಿದರು.

ಗ್ರಾಮದ ಪರಿಶಿಷ್ಟರ ಕಾಲೋನಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಕಾಲೋನಿಯಲ್ಲಿರುವ ಅಂಬೇಡ್ಕರ್ ಸಮುದಾಯ ಭವನ ಶಿಥಲಗೊಂಡಿದ್ದು ನೂತನ ಸಮುದಾಯ ಭವನ ನಿರ್ಮಿಸಿ ಕೊಡುವಂತೆ ಕಾಲೋನಿಯ ಮುಖಂಡರು ಮನವಿ ಸಲ್ಲಿಸಿದರು. ಜಿಲ್ಲಾಧಿಕಾರಿ ಪ್ರತಿಕ್ರಿಯಿಸಿ ಹಳೆಯ ಸಮುದಾಯ ಭವನವನ್ನು ದುರಸ್ತಿಗೊಳಿಸಲಾಗುವುದು. ಅಗತ್ಯವಿದ್ದರೆ ಶಾಸಕರೊಂದಿಗೆ ಚರ್ಚಿಸಿ ನೂತನ ಸಮುದಾಯ ಭವನ ನಿರ್ಮಾಣಕ್ಕೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ವಿಶ್ವ ಮೊಸಳೆಗಳ ದಿನ ; ಮೊಸಳೆ ಬಗ್ಗೆ ನಿಮಗಿಷ್ಟು ತಿಳಿದಿರಲಿ

Published

on

  • ಸಂಜಯ್ ಹೊಯ್ಸಳ

ಪ್ರತಿ ವರ್ಷದ ಜೂನ್ 17 ನ್ನು ವಿಶ್ವ ಮೊಸಳೆ ದಿನವನ್ನಾಗಿ ಆಚರಿಸಲಾಗುತ್ತದೆ. ವಿಶ್ವದಲ್ಲಿ ಪ್ರಮುಖವಾಗಿ 24 ಜಾತಿಯ ಮೊಸಳೆಗಳಿದ್ದು, ಭಾರತದಲ್ಲಿ ಸದ್ಯಕ್ಕೆ 3 ಪ್ರಬೇಧದ ಮೊಸಳೆ ಸಂತತಿಗಳಿವೆ. ಅವುಗಳೆಂದರೆ..

ಉಪ್ಪು ನೀರಿನ ಮೊಸಳೆ (Saltwater crocodile) 
ಮಗ್ಗರ್/ಮಾರ್ಷ್ (Mugger)
ಘಾರಿಯಲ್ (Gharial)

ಇವುಗಳಲ್ಲಿ ಕರ್ನಾಟಕದಲ್ಲಿನ ನದಿಗಳಲ್ಲಿ, ಕೆಲವು ದೊಡ್ಡ ಕೆರೆಗಳಲ್ಲಿ ಕಂಡುಬರುವ ಮೊಸಳೆಗಳು ಮಗ್ಗರ್/ಮಾರ್ಷ್ ಮೊಸಳೆಗಳಾಗಿವೆ. ಕರ್ನಾಟಕದಲ್ಲಿ ಮೊಸಳೆಗಳು ಹೆಚ್ಚಾಗಿ ಉತ್ತರ ಕನ್ನಡ ಜಿಲ್ಲೆಯ ಕಾಳಿ ನದಿ ಪಾತ್ರದಲ್ಲಿ ಕಂಡುಬರುತ್ತವೆ. ಇತ್ತೀಚೆಗೆ ಮೊಸಳೆಯ ದವಣೆಗೆ ಸಿಲುಕಿ‌ ಕೆಲವು ಸಾವು ನೋವಿನ ಪ್ರಕರಣಗಳು ಆ ಭಾಗದಲ್ಲಿ ವರದಿಯಾಗಿವೆ‌.

ಇನ್ನು ಉತ್ತರ ಕರ್ನಾಟಕದ ಭಾಗದ ಕೆಲವು ಪ್ರಮುಖ ನದಿಗಳ ಪಾತ್ರದಲ್ಲೂ ಮೊಸಳೆಗಳು ಆಗಾಗ್ಗೆ ಕಂಡುಬರುತ್ತವೆ. ನಾನು ನೋಡಿದಂತೆ ಉತ್ತರ ಕರ್ನಾಟಕ ಭಾಗಕ್ಕೆ ಹೋಲಿಸಿದರೆ ದಕ್ಷಿಣ ಕರ್ನಾಟಕ ಭಾಗದಲ್ಲಿ ಮೊಸಳೆಗಳ ದಾಳಿ ಪ್ರಕರಣಗಳು ತುಂಬಾ ಕಡಿಮೆ ಎನ್ನಬಹುದು. ಈ‌ ಭಾಗದ ನದಿಗಳಲ್ಲಿ ಮೊಸಳೆಗಳ ಸಂಖ್ಯೆ ಕಡಿಮೆ ಇರುವುದು ಇದಕ್ಕೆ ಕಾರ ಇರಬಹುದು.

ಕಾವೇರಿ ನದಿಯಲ್ಲಿ ಅತಿಹೆಚ್ಚು ಮೊಸಳೆಗಳು‌ ಕಂಡು ಬರುವುದು ಮಂಡ್ಯದ ಶ್ರೀರಂಗಪಟ್ಟಣ ತಾಲ್ಲೂಕಿನ ವಿಶ್ವವಿಖ್ಯಾತ ಪಕ್ಷಿ ಧಾಮವಾದ ರಂಗನತಿಟ್ಟು ಪಕ್ಷಿಧಾಮದಲ್ಲಿ. ಹಿಂದೆ ಪಂಚತಂತ್ರದಲ್ಲಿ ಮೊಸಳೆ ಮತ್ತು ಕೋತಿ‌ಕತೆಯಲ್ಲಿ ಮೊಸಳೆಯ ಹೆಂಡತಿಗೆ ಕೋತಿ‌ ನೇರಳೆ ಹಣ್ಣುಗಳನ್ನು ಹೊತ್ತೊಯ್ಯುವ ಕತೆಯಲ್ಲಿ ಗಂಡ ಮತ್ತು‌ ಹೆಂಡತಿ‌ ಮೊಸಳೆಯನ್ನು ಕಲ್ಪಿಸಿಕೊಂಡು ಮಾತ್ರ ನಾನು ಮೊದಲು ಅವುಗಳ ಸಹಜ ಆವಾಸಸ್ಥಾನದಲ್ಲಿ ಮೊಸಳೆಯನ್ನು ನೋಡಿದ್ದು ನಾಗರಹೊಳೆ ಅರಣ್ಯ ವ್ಯಾಪ್ತಿಯಲ್ಲಿ ಹರಿಯುವ ಲಕ್ಷ್ಮಣತೀರ್ಥ ನದಿಯಲ್ಲಿ. ನಂತರ ಬಂಡೀಪುರ ದಟ್ಟಡವಿಯಲ್ಲಿ ಹರಿಯುವ ಮೂಲೆಹೊಳೆ/ ನುಗು ನದಿಯಲ್ಲಿ…‌ ನಂತರದ ದಿನಗಳಲ್ಲಿ ಕಬಿನಿ, ಪಾಲರ್ ಸೇರಿ ಬಹಳಷ್ಟು ಕಡೆ ಬಹಳಷ್ಟು ಮೊಸಳೆಗಳನ್ನು ನೋಡುವ ಅವಕಾಶ ಸಿಕ್ಕಿತು.

ಘಾರಿಯಲ್ ಗಳು ತುಂಬಾ ಅಪರೂಪದ ಮೊಸಳೆ ಸಂತತಿಗಳಾಗಿದ್ದು, ಸದ್ಯ ಉತ್ತರ ಭಾರತದ ಕೆಲವು ನದಿಗಳು ಹಾಗೂ ನೇಪಾಳದಲ್ಲಿ ಮಾತ್ರ ಇವು ಕಾಣಸಿಗುತ್ತಿವೆ. ಇವುಳನ್ನು IUCN red list ಗೆ ಸೇರಿಸಿದ್ದು, ಇವುಗಳ ಸಂರಕ್ಷಣೆಗೆ ವಿಶೇಷ ಗಮನ ನೀಡಲಾಗಿದೆ.

ನಮಗೆಲ್ಲಾ ಗೊತ್ತಿರುವಂತೆ ಜೀವವೈವಿಧ್ಯತೆಯ ರಕ್ಷಣೆಯಲ್ಲಿ ಎಲ್ಲಾ ಜೀವಿಗಳ‌ ಇರುವಿಕೆ ಬಹಳ ಮುಖ್ಯ. ಜಲಚರಗಳಲ್ಲಿ ಅಗ್ರ ಪರಪಕ್ಷಕಗಳಲ್ಲಿ ಒಂದೆನಿಸಿದ ಮೊಸಳೆ ಜಲಚರ ಜೀವಿಗಳ ಸಮತೋಲನ ಸಾಧಿಸಿ ಅಲ್ಲಿನ ಜೀವವೈವಿಧ್ಯ ಕಾಪಾಡುವಲ್ಲಿ ಇವು ಪ್ರಮುಖ ಪಾತ್ರ ವಹಿಸುತ್ತವೆ. ಹೀಗಾಗಿ ನಾವು ಮೊಸಳೆಗಳನ್ನು ಕೂಡ ಇತರ ಪ್ರಾಣಿಗಳಂತೆ ರಕ್ಷಿಸಬೇಕು.

ಮುಖ್ಯವಾಗಿ ಅವುಗಳ ಆವಾಸಸ್ಥಾನವಾದ ನದಿ, ಸರೋವರದಂತಹ ಜಲಮೂಲಗಳನ್ನು ಸಂರಕ್ಷಿಸಬೇಕು. ಅಲ್ಲಿ ಅಕ್ರಮ ಮರಳುಗಾರಿಗೆ ತಡೆದು, ಜಲಮಾಲಿನ್ಯ ನಿಯಂತ್ರಣ ಮಾಡಬೇಕು. ಹಾಗೆ ಪ್ಲಾಸ್ಟಿಕ್ ತ್ಯಾಜ್ಯಗಳು ನದಿ, ಸರೋವರಗಳನ್ನು ಸೇರದಂತೆ ಕ್ರಮವಹಿಸಬೇಕು. ಹಾಗೆಯೇ ಎಲ್ಲಾದರೂ ಮೊಸಳೆಗಳು ಕಂಡುಬಂದರೆ ಗಾಬರಿಯಾಗದೆ ತಕ್ಷಣ ಅರಣ್ಯ ಇಲಾಖೆಯ ಗಮನಕ್ಕೆ ತರಬೇಕು. (ಬರಹ:ಸಂಜಯ್ ಹೊಯ್ಸಳ,ಫೇಸ್ ಬುಕ್ ನಿಂದ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಜುಲೈ 1 ರಿಂದ ಹೊಸ ಕ್ರಿಮಿನಲ್ ಕಾನೂನು ಜಾರಿ

Published

on

ಸುದ್ದಿದಿನಡೆಸ್ಕ್:ಹೊಸ ಕ್ರಿಮಿನಲ್ ಕಾನೂನುಗಳನ್ನು ಜಾರಿಗೆ ತರುವ ನಿರ್ಧಾರವನ್ನು ಕೇಂದ್ರ ಸರ್ಕಾರ ಮರು ಪರಿಶೀಲಿಸುತ್ತಿಲ್ಲ ಎಂದು ಕೇಂದ್ರ ಕಾನೂನು ಮತ್ತು ನ್ಯಾಯ ಖಾತೆ ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಸ್ಪಷ್ಟಪಡಿಸಿದ್ದಾರೆ.

ಭಾರತೀಯ ದಂಡ ಸಂಹಿತೆ 1860, ಭಾರತೀಯ ಸಾಕ್ಷ್ಯ ಕಾಯ್ದೆ 1872 ಮತ್ತು ಅಪರಾಧ ಪ್ರಕ್ರಿಯಾ ಸಂಹಿತೆ 1973 ಅನ್ನು ಬದಲಿಸುವ ಕಾನೂನುಗಳು ಜುಲೈ 1 ರಿಂದ ಜಾರಿಗೆ ಬರಲಿವೆ ಎಂದು ಅವರು ಹೇಳಿದ್ದಾರೆ. ಭಾರತೀಯ ನ್ಯಾಯ್ ಸಂಹಿತಾ, ಭಾರತೀಯ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷ್ಯ ಅಧಿನಿಯಮ್ ಎಂಬ ಹೊಸ ಕ್ರಿಮಿನಲ್ ಕಾನೂನುಗಳು ಜುಲೈ 1 ರಿಂದ ಜಾರಿಗೆ ಬರಲಿವೆ ಎಂದು ತಿಳಿಸಿದ್ದಾರೆ.

“ಐಪಿಸಿ, ಸಿಆರ್‌ಪಿಸಿ ಹಾಗೂ ಭಾರತೀಯ ಸಾಕ್ಷ್ಯ ಕಾಯ್ದೆಗಳು ಬದಲಾಗುತ್ತಿವೆ. ಸೂಕ್ತ ಸಮಾಲೋಚನೆ ಪ್ರಕ್ರಿಯೆ ಅನುಸರಣೆ ಹಾಗೂ ಕಾನೂನು ಆಯೋಗದ ವರದಿಗಳನ್ನು ಗಮನದಲ್ಲಿಟ್ಟುಕೊಂಡು ಈ ಮೂರು ಕಾನೂನುಗಳನ್ನು ಬದಲಾಯಿಸಲಾಗಿದೆ” ಎಂದು ಮೇಘವಾಲ್ ತಿಳಿಸಿದರು.”

ಈ ಮೂರು ಕಾನೂನುಗಳನ್ನು ಜುಲೈ 1 ರಿಂದ ಭಾರತೀಯ ನ್ಯಾಯ್ ಸಂಹಿತಾ, ಭಾರತೀಯ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷ್ಯ ಅಧಿನಿಯಮ್ ಎಂಬ ಹೆಸರಿನಲ್ಲಿ ಜಾರಿಗೆ ತರಲಾಗುವುದು. ಮೂರು ಹೊಸ ಕಾನೂನುಗಳ ತರಬೇತಿ ಸೌಲಭ್ಯಗಳನ್ನು ಎಲ್ಲಾ ರಾಜ್ಯಗಳಿಗೂ ಒದಗಿಸಲಾಗುತ್ತಿದೆ” ಎಂದು ಮೇಘವಾಲ್ ವಿವರಿಸಿದ್ದಾರೆ.”

ನಮ್ಮ ನ್ಯಾಯಾಂಗ ಅಕಾಡೆಮಿಗಳು, ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯಗಳು ಸಹ ಈ ಬಗ್ಗೆ ತರಬೇತಿ ನೀಡುತ್ತಿವೆ. ಎಲ್ಲವೂ ಜೊತೆಜೊತೆಯಾಗಿ ಸಾಗುತ್ತಿದೆ ಮತ್ತು ಜುಲೈ 1 ರಿಂದ, ಕ್ರಿಮಿನಲ್ ನ್ಯಾಯ ವ್ಯವಸ್ಥೆಗೆ ನಿರ್ಣಾಯಕವಾದ ಈ ಎಲ್ಲಾ ಮೂರು ಕಾನೂನುಗಳನ್ನು ದೇಶದಲ್ಲಿ ಜಾರಿಗೆ ತರಲಾಗುವುದು” ಎಂದು ಅವರು ಸ್ಪಷ್ಟಪಡಿಸಿದರು.

ದೇಶದಲ್ಲಿ ಅಪರಾಧ ನ್ಯಾಯ ಸುಧಾರಣೆಯು ದೇಶದ ನ್ಯಾಯದಾನ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಯನ್ನು ಇದು ಸೂಚಿಸುತ್ತದೆ. ಮಹಿಳೆಯರು, ಮಕ್ಕಳು ಮತ್ತು ರಾಷ್ಟ್ರದ ವಿರುದ್ಧದ ಅಪರಾಧಗಳನ್ನು ಇದು ಮುಂಚೂಣಿಯಲ್ಲಿರಿಸುತ್ತದೆ. ಅಲ್ಲದೆ ಇದು ವಸಾಹತುಶಾಹಿ ಯುಗದ ಕಾನೂನುಗಳಿಗೆ ಸಂಪೂರ್ಣವಾಗಿ ವಿರುದ್ಧವಾಗಿದೆ ಎಂದು ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕರ್ನಾಟಕದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ; ವ್ಯಾಪಕ ಟೀಕೆ

Published

on

ಸುದ್ದಿದಿನಡೆಸ್ಕ್: ಕರ್ನಾಟಕದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಸರ್ಕಾರದ ಕ್ರಮವನ್ನು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಟೀಕಿಸಿದ್ದಾರೆ.

ರಾಜ್ಯ ಸರ್ಕಾರ ಮೊನ್ನೆಯಿಂದ ಜಾರಿಗೆ ಬರುವಂತೆ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ಹೆಚ್ಚಿಸಿದ ನಂತರ ರಾಜ್ಯದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 3 ರೂಪಾಯಿ ಹಾಗೂ ಡೀಸೆಲ್ 3.5 ರೂಪಾಯಿಗಳಷ್ಟು ಹೆಚ್ಚಿಸಲಾಗಿದೆ. ಪ್ರತಿ ಕುಟುಂಬದ ಮಹಿಳೆಗೆ ತಿಂಗಳಿಗೆ 8 ಸಾವಿರದ 500 ರೂಪಾಯಿಗಳನ್ನು ವರ್ಗಾವಣೆ ಮಾಡುವ ಭರವಸೆಯನ್ನು ಈಡೇರಿಸುವ ಬದಲು, ಕಾಂಗ್ರೆಸ್ ಆಡಳಿತದ ಕರ್ನಾಟಕ ಸರ್ಕಾರವು, ರಾಜ್ಯದ ಜನರಿಗೆ ಹೊರೆಯಾಗಿದೆ ಎಂದು ಹರ್ದೀಪ್ ಸಿಂಗ್ ಪುರಿ ಸಾಮಾಜಿಕ ಜಾಲತಾಣದಲ್ಲಿ ದೂರಿದ್ದಾರೆ. ಇಂತಹ ನಿರ್ಧಾರ ಹಣದುಬ್ಬರದ ಬಗ್ಗೆ ಮಾತನಾಡುವ ಕಾಂಗ್ರೆಸ್‌ನ ಬೂಟಾಟಿಕೆ ಬಹಿರಂಗಪಡಿಸುತ್ತದೆ. ಆದರೆ ಬಿಜೆಪಿ ಆಡಳಿತವಿರುವ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಪ್ರತಿ ಲೀಟರ್‌ಗೆ ಸುಮಾರು 8 ರೂಪಾಯಿಗಳಿಂದ 12 ರೂಪಾಯಿಗಳಷ್ಟು ಹೆಚ್ಚುವರಿ ವ್ಯಾಟ್ ಅನ್ನು ವಿಧಿಸುತ್ತಿದೆ ಎಂದು ಸಚಿವರು ಆರೋಪಿಸಿದ್ದಾರೆ.

ಈ ವಿಚಾರದ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಖಾತೆ ಸಚಿವ ಪ್ರಲ್ಹಾದ್ ಜೋಶಿ, ರಾಜ್ಯ ಸರ್ಕಾರ ಮುಂದಾಲೋಚನೆ ಇಲ್ಲದೇ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು, ಈಗ ಆರ್ಥಿಕ ಹೊರೆ ತಡೆಯಲು ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ ಮಾಡಿದೆ ಎಂದು ಹುಬ್ಬಳ್ಳಿಯಲ್ಲಿ ಆರೋಪಿಸಿದ್ದಾರೆ.

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ಬಸ್ ದರ, ಹಾಲಿನ ದರ, ಅಗತ್ಯ ವಸ್ತುಗಳ ದರ ಹೆಚ್ಚಲಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಆಡಳಿತದ ವ್ಯವಸ್ಥೆ ಕುಸಿದುಹೋಗಿದೆ ಎಂದು ದೂರಿದ ಅವರು, ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ಹೋರಾಟ ನಡೆಸಲಾಗುವುದು ಎಂದು ಪ್ರಲ್ಹಾದ್ ಜೋಶಿ ಎಚ್ಚರಿಕೆ ನೀಡಿದ್ದಾರೆ.

ಮತ್ತೊಂದೆಡೆ, ರಾಜ್ಯದಲ್ಲಿ ಪೆಟ್ರೋಲ್, ಡಿಸೇಲ್ ದರ ಏರಿಕೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ. ವ್ಯಾಟ್ ಹೆಚ್ಚಳ ಬಳಿಕ ದಕ್ಷಿಣ ಭಾರತದ ರಾಜ್ಯಗಳಿಗಿಂತ ಕರ್ನಾಟಕದಲ್ಲಿಯೇ ದರ ಕಡಿಮೆ ಇದೆ. ಆರ್ಥಿಕವಾಗಿ ಬಲಿಷ್ಠವಾಗಿರುವ ಮಹಾರಾಷ್ಟ್ರಕ್ಕಿಂತಲ್ಲೂ ಹಾಗೂ ಗುಜರಾತ್ ಮತ್ತು ಮಧ್ಯಪ್ರದೇಶಕ್ಕಿಂತಲ್ಲೂ ನಮ್ಮ ರಾಜ್ಯದಲ್ಲಿ ದರ ಕಡಿಮೆ ಇದೆ ಎಂದು ಹೇಳಿದ್ದಾರೆ.

ಈ ಹಿಂದಿನ ಬಿಜೆಪಿ ಸರ್ಕಾರ ತೆರಿಗೆ ಕಡಿಮೆ ಮಾಡಿದ್ದರೂ, ಕೇಂದ್ರ ಸರ್ಕಾರ ಪದೇ ಪದೆ ವ್ಯಾಟ್ ಹೆಚ್ಚಳ ಮಾಡಿತ್ತು ಎಂದು ಆರೋಪಿಸಿದ್ದಾರೆ. ರಾಜ್ಯದ ತೆರಿಗೆ ಹೆಚ್ಚಳದಿಂದ ಅಭಿವೃದ್ಧಿ ಕೆಲಸಗಳಿಗೆ ಹೆಚ್ಚು ಒತ್ತು ನೀಡಲಾಗುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending