Connect with us

ದಿನದ ಸುದ್ದಿ

ಜನರಿಗೆ ತಮ್ಮ ಕೆಲಸಗಳಾಗುವ ಭರವಸೆ,15 ದಿನಕ್ಕೊಮ್ಮೆ ಜನಸ್ಪಂದನ : ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ | ಜನಸ್ಪಂದನದ ಕಂಪ್ಲೀಟ್ ಡೀಟೆಲ್ಸ್ ; ಮಿಸ್ ಮಾಡ್ದೆ ಓದಿ

Published

on

ಸುದ್ದಿದಿನ,ದಾವಣಗೆರೆ : ಜನಸ್ಪಂದನ ಕಾರ್ಯಕ್ರಮ ನಡೆಸುವುದರಿಂದ ಜನರಿಗೆ, ಸರ್ಕಾರ ಹಾಗೂ ಜಿಲ್ಲಾಡಳಿತ ನಮ್ಮ ನೆರವಿಗೆ ಇದೆ ಎಂಬ ಭಾವನೆ ಬಂದು ಅವರ ಕೆಲಸಗಳು ಆಗುವುದರಿಂದ ಸರ್ಕಾರದ ಮೇಲೆ ಅವರಿಗೆ ಭರವಸೆ ಮೂಡುತ್ತದೆ. ಹಾಗಾಗಿ ಪ್ರತಿ ಅರ್ಜಿದಾರರ ಸಮಸ್ಯೆಗಳನ್ನು ಆಲಿಸಿ ನಿಯಮಗಳನ್ವಯ ಅವರ ಕೆಲಸಗಳನ್ನು ಮಾಡಿಕೊಡಲು ಎಲ್ಲಾ ಇಲಾಖೆ ಅಧಿಕಾರಿಗಳು ಶ್ರಮಿಸಬೇಕು ಹಾಗೂ ಮುಂದಿನ ದಿನಗಳಲ್ಲಿ 15 ದಿನಕ್ಕೊಮ್ಮೆ ಜನಸ್ಪಂದನ ಕಾರ್ಯಕ್ರಮವನ್ನು ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ತಿಳಿಸಿದರು.

ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ಜನಸ್ಪಂದನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಧಿಕಾರಿಗಳಲ್ಲಿ ಸಕಾರಾತ್ಮಕ ಮನೋಭಾವನೆ ಇರಬೇಕು. ಎಷ್ಟೋ ಸಮಸ್ಯೆಗಳನ್ನು ಮಾತಿನಿಂದ ಪರಿಹರಿಸಬಹುದು. ಹೀಗಿರುವಾಗ ಯಾವುದೇ ಸಮಸ್ಯೆಯಾಗಲೀ ತನ್ನಿಂದ ಆಗುವುದಿಲ್ಲ ಎನ್ನುವ ಬದಲು ಪರಿಶೀಲನೆ ನಡೆಸುತ್ತೇವೆ ಎಂದರೆ ಸಾರ್ವಜನಿಕರಲ್ಲಿ ಅಧಿಕಾರಿಗಳ ಮೇಲೆ ಆಶಾಭಾವನೆ ಬೆಳೆಯುತ್ತದೆ ಎಂದು ಅಧಿಕಾರಿಗಳಿಗೆ ಕಿವಿಮಾತು ಹೇಳಿದರು.

ಚಿಕ್ಕಬೆನ್ನೂರು ಗ್ರಾಮದ ಕಲ್ಪನಾ ಅರ್ಜಿ ಸಲ್ಲಿಸಿ ಸರ್ವೇ ನಂ-25ರಲ್ಲಿ 3 ಎಕರೆ ಜಮೀನಿನ ಸಾಗುವಳಿ ಚೀಟಿಯನ್ನು ಪಡೆದುಕೊಂಡು ಖಾತೆ ಮತ್ತು ಪಹಣಿಯನ್ನು ಪಡೆದುಕೊಂಡಿದ್ದು, ಅದರಂತೆ ಸದರಿ ಜಮೀನನ್ನು ಪೋಡಿ ದುರಸ್ತಿ ಮತ್ತು ಹದ್ದುಬಸ್ತು ಮಾಡಿಸಿಕೊಡುವಂತೆ ಕೋರಿಕೊಂಡರು. ಇದಕ್ಕೆ ಜಿಲ್ಲಾಧಿಕಾರಿಗಳು ಕಾನೂನಾತ್ಮಕವಾಗಿ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

ಬಸವೇಶ್ವರ ಎಜ್ಯುಕೇಷನ್ ಟ್ರಸ್ಟ್ ಸದಸ್ಯರು ಮಹಾನಗರ ಪಾಲಿಕೆ ಚುನಾವಣೆ ಕೆಲಸಕ್ಕಾಗಿ ಕೆ.ಬಿ.ಬಡಾವಣೆಯ ಬಸವೇಶ್ವರ ಎಜ್ಯುಕೇಷನ್ ಟ್ರಸ್ಟ್ ವತಿಯಿಂದ 2 ದಿನಗಳ ಕಾಲ ಶಾಲಾ ವಾಹನವನ್ನು ಬಳಸಿಕೊಂಡಿದ್ದು, ವಾಹನದ ಬಾಡಿಗೆಯನ್ನು ಕೊಡದೆ ಅಲೆದಾಡಿಸಿದ್ದಾರೆ. ಕೂಡಲೇ ಬಾಡಿಗೆಯನ್ನು ಕೊಡಿಸಬೇಕೆಂದು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಡಿಸಿ ಕೂಡಲೇ ಪರಿಹರಿಸಲಾಗುವುದು ಎಂದರು.

ಆನಗೋಡು ಹೋಬಳಿ ನೇರಿಗೆ ಗ್ರಾಮದಲ್ಲಿ ಕೃಷಿ ಸಹಾಯಕರ ವಾಸಕ್ಕಾಗಿ ಸರ್ಕಾರದಿಂದ ವಸತಿ ಗೃಹವನ್ನು ನಿರ್ಮಿಸಿದ್ದು, ಇತ್ತೀಚೆಗೆ ಈ ಹುದ್ದೆಯನ್ನು ರದ್ದು ಮಾಡಲಾಯಿತು. ಪ್ರಸ್ತುತ ಈ ಜಾಗದಲ್ಲಿ ಖಾಸಾಗಿ ವ್ಯಕ್ತಿಯೊಬ್ಬರು ವಾಸಮಾಡುತ್ತಿದ್ದು, ಬಾಡಿಗೆಯನ್ನು ನೀಡುತ್ತಿಲ್ಲ.

ಅವರನ್ನು ಕೂಡಲೇ ಈ ಜಾಗದಿಂದ ಖಾಲಿ ಮಾಡಿಸಿ ಇಲ್ಲಿ ಅಂಚೆ ಕಚೇರಿ, ಗ್ರಾಮ ಲೆಕ್ಕಾಧಿಕಾರಿ ಅಥವಾ ಪಶು ಚಿಕಿತ್ಸಾಲಯ ಕಚೇರಿಗಳ ಪೈಕಿ ಯಾವುದಾದರು ಒಂದನ್ನು ಈ ಜಾಗಕ್ಕೆ ಸ್ಥಳಾಂತರ ಮಾಡಬೇಕು ಎಂದು ಗ್ರಾಮಸ್ಥರೊಬ್ಬರು ಅರ್ಜಿ ಸಲ್ಲಿಸಿದರು. ಇದಕ್ಕೆ ಜಿಲ್ಲಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದರು.

ಇದನ್ನೂ ಓದಿ | ಹೆಚ್.ಎ.ಎಲ್ ನಲ್ಲಿ‌ ತರಬೇತಿಗಾಗಿ ಅರ್ಜಿ ಆಹ್ವಾನ

ವೆಂಕಟೇಶ್‍ನಾಯ್ಕ್ ಅರ್ಜಿ ಸಲ್ಲಿಸಿ ದಿನಗೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದು, ನನ್ನ ಹೆಂಡತಿ ಮೂಕಿ ಹಾಗೂ ಕಿವುಡಿಯಾಗಿದ್ದಾಳೆ. ಒಂದುವರೆ ವರ್ಷದ ಮಗನಿಗೆ ಕಣ್ಣಿನ ತೊಂದರೆಯಿದ್ದು ತುರ್ತಾಗಿ ಶಸ್ತ್ರಚಿಕಿತ್ಸೆ ಮಾಡಿಸಬೇಕು. ಆಸ್ಪತ್ರೆಯಲ್ಲಿ ಗುರುತಿನ ಚೀಟಿ, ರೇಷನ್‍ಕಾರ್ಡ್, ಆಧಾರ್‍ಕಾರ್ಡ್‍ಗಳನ್ನು ಕೇಳುತ್ತಿದ್ದು, ತಮ್ಮ ಬಳಿ ಇದ್ಯಾವುದೇ ಅಗತ್ಯ ದಾಖಲೆಗಳಿಲ್ಲ ಎಂದು ಸಮಸ್ಯೆ ಕುರಿತು ಹೇಳುವಾಗ, ಜಿಲ್ಲಾಧಿಕಾರಿ ಮೊದಲು ಆಧಾರ್‍ಕಾರ್ಡ್, ಬಿಪಿಎಲ್ ಕಾರ್ಡ್ ಮಾಡಿಸಿಕೊಳ್ಳಿ ತದನಂತರ ನಿಮ್ಮ ಮಗನ ಚಿಕಿತ್ಸೆ ನಡೆಯುತ್ತದೆ ಎಂದು ಭರವಸೆ ನೀಡಿದರು.

ಶಿವಕುಮಾರ್ ಸ್ವಾಮಿ ಲೇಔಟ್, 2ನೇ ಹಂತದ, 8ನೇ ಕ್ರಾಸ್, ಡಾಬಾ ಸ್ಟಾಪ್ ಹತ್ತಿರವಿರುವ ನಗರಾಭಿವೃದ್ಧಿ ಪ್ರಾಧಿಕಾರದಿಂದ ಪಾರ್ಕ್ ಆಗಿ ಅನುಮೋದಿತಗೊಂಡಿರುವ ಜಾಗದಲ್ಲಿ ಬಂಜಾರ ಸಮುದಾಯದವರು ದೇವಸ್ಥಾನ ನಿರ್ಮಿಸಿ 2 ಬಾವುಟಗಳನ್ನು ಹಾರಿಸಿದ್ದಾರೆ. ಸಾರ್ವಜನಿಕ ಉದ್ಯಾನವನದ ಜಾಗ ದುರ್ಬಳಕೆ ಮಾಡಿಕೊಂಡಿದ್ದು ಕೂಡಲೇ ದೇವಸ್ಥಾನವನ್ನು ತೆರವುಗೊಳಿಸಿ ಪಾರ್ಕ್ ಆಗಿ ಉಳಿಸಿಕೊಡಬೇಕು ಎಂದು ಬಡಾವಣೆಯ ನಿವಾಸಿಗಳು ಮನವಿ ಸಲ್ಲಿಸಿದರು. ಜಿಲ್ಲಾಧಿಕಾರಿ ಕೂಡಲೇ ಪರಿಶೀಲನೆ ನಡೆಸಿ ವರದಿ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಎಸ್.ಎಸ್.ಬಡಾವಣೆ ‘ಎ’ ಬ್ಲಾಕ್ ನೇತಾಜಿ ಸುಭಾಷ್‍ಚಂದ್ರಬೋಸ್ ಒಳಾಂಗಣ ಕ್ರೀಡಾಂಗಣದ ಎದುರು ಇರುವ ವಿದ್ಯುತ್ ಟ್ರಾನ್ಸ್‍ಫರ್ಮರ್ ಮತ್ತು ಕಂಬಗಳನ್ನು ಸ್ಥಳಾಂತರಿಸಿ, ಇದನ್ನು ಸೈಟ್ ನಂ.30, ಡೋರ್ ನಂಬರ್ 3989, 11ನೇ ಮುಖ್ಯ ರಸ್ತೆಗೆ ಮರುಸ್ಥಾಪಿಸಲು ಉದ್ದೇಶಿಸಲಾಗಿದೆ. ಆದರೆ ಈ ರಸ್ತೆಯು 20 ಅಡಿ ಅಗಲವಿದ್ದು, ಇದರಲ್ಲಿ ಚರಂಡಿ, ನೀರಿನ ಪೈಪ್‍ಲೈನ್, ಮತ್ತು ಯುಜಿಡಿ ಪೈಪ್‍ಲೈನ್ ಇದ್ದು, ಅರಣ್ಯ ಇಲಾಖೆಯ ಅನುಮತಿ ಇಲ್ಲದೇ ಈಗಾಗಲೇ ಹೊಂಗೆ ಮರವನ್ನು ಕಡಿದಿದ್ದಾರೆ.

ಸದರಿ ರಸ್ತೆಯಲ್ಲಿ ಬಹಳ ಜನ ಮತ್ತು ವಾಹನ ಸಂಚಾರವಿರುವುದರಿಂದ ಹಾಲಿ ಇರುವ ಅಂದರೆ ಒಳಾಂಗಣ ಕ್ರೀಡಾಂಗಣದ ಎದುರಿನಲ್ಲಿರುವ 80 ಅಡಿ ರಸ್ತೆಯಲ್ಲಿ ಎಲ್ಲಿ ಬೇಕಾದರೂ ವಿದ್ಯುತ್ ಟ್ರಾನ್ಸ್‍ಫಾರ್ಮರ್‍ನ್ನು ಮರುಸ್ಥಾಪಿಸಬೇಕು ಎಂದು ಬಡಾವಣೆ ನಿವಾಸಿಗಳು ಮನವಿ ಮಾಡಿದರು. ಜಿಲ್ಲಾಧಿಕಾರಿ ಪ್ರತಿಕ್ರಿಯಿಸಿ ಈ ಸ್ಥಳಕ್ಕೆ ಸ್ವತಃ ನಾನು ಖುದ್ದಾಗಿ ಭೇಟಿ ನೀಡಿದ್ದು ಸಮಸ್ಯೆಯ ಬಗ್ಗೆ ತಿಳುವಳಿಕೆ ಇದೆ ಎಂದ ಅವರು 80 ಅಡಿ ರಸ್ತೆಯಲ್ಲೆ ಟ್ರ್ಯಾನ್ಸ್‍ಫಾರ್ಮ್ ಮರುಸ್ಥಾಪಿಸಲು ಕೆಇಬಿ ಅಧಿಕಾರಿಗೆ ನಿರ್ದೇಶಿಸಿದರು.

ಬೂದಳ್ ರಸ್ತೆಯಲ್ಲಿರುವ ಆಶ್ರಯ ಮನೆಗಳ ಪೈಕಿ ಮನೆ ನಂ.6ರ ಮೇಲೆ ಏರ್‍ಟೇಲ್ ನೆಟ್‍ವರ್ಕ್ ಟವರ್ ಹಾಕುತ್ತಿರುವುದು ಗಮನಕ್ಕೆ ಬಂದಿದೆ. ಹೀಗಾದಲ್ಲಿ ಅಕ್ಕಪಕ್ಕದ ನಿವಾಸಿಗಳ ಆರೋಗ್ಯದ ಮೇಲೆ ತೊಂದರೆಯುಂಟಾಗುತ್ತದೆ. ಆದ್ದರಿಂದ ಇದನ್ನು ತಡೆ ಹಿಡಿಯಬೇಕು ಎಂದು ವ್ಯಕ್ತಿಯೊಬ್ಬರು ಮನವಿ ಮಾಡಿದರು. ಇದಕ್ಕೆ ಜಿಲ್ಲಾಧಿಕಾರಿಗಳು ಪಾಲಿಕೆ ಆಯುಕ್ತರಿಗೆ ಸೂಚಿಸಿ ಸಮಸ್ಯೆ ಪರಿಹರಿಸುತ್ತೇವೆ ಎಂದು ತಿಳಿಸಿದರು.

ಸಂಧ್ಯಾಸುರಕ್ಷ ಯೋಜನೆಯಡಿ ನನಗೆ ಒಂದು ಸಾವಿರ ರೂಪಾಯಿ ಬರುತ್ತಿದ್ದು, ಅದನ್ನು ನೇರವಾಗಿ ಬ್ಯಾಂಕ್ ಖಾತೆಗೆ ಜಮ ಮಾಡಿ ಎಂದು ಶಾರದಮ್ಮ ಮನವಿ ಸಲ್ಲಿಸಿದರು.
ಕೆ.ಬಿ.ಪ್ರಕಾಶ್ ಅರ್ಜಿ ಸಲ್ಲಿಸಿ ರಸ್ತೆ ಅಪಘಾತದಲ್ಲಿ ತಮ್ಮ ಎಡಗಾಲನ್ನು ಸಂಪೂರ್ಣವಾಗಿ ಕಳೆದುಕೊಂಡಿದ್ದು, ಚನ್ನಗಿರಿ ಆಸ್ಪತ್ರೆಯ ವೈದ್ಯರು ಮೆಡಿಕಲ್ ವರದಿಯಲ್ಲಿ ಶೇ.60 ರಷ್ಟು ಅಂಗನ್ಯೂನತೆ ಎಂದು ನಮೂದಿಸಿದ್ದಾರೆ. ಅದನ್ನು ಶೇಕಡಾ.75ರಷ್ಟು ಅಂಗನ್ಯೂನ್ಯತೆಗೆ ಹೆಚ್ಚಿಸಿ ಪರಿಹಾರ ಒದಗಿಸಬೇಕೆಂದು ಕೋರಿದರು. ಜಿಲ್ಲಾಧಿಕಾರಿ ಅವರನ್ನು ಸ್ಥಳದಲ್ಲೇ ಪರಿಶೀಲಿಸಿ ಇವರಿಗೆ ಕೂಡಲೇ ಶೇಕಡಾ. 75 ರಷ್ಟು ಅಂಗನ್ಯೂನತೆಗೆ ಹೆಚ್ಚಿಸಿ ಎಂದು ಆರೋಗ್ಯಾಧಿಕಾರಿಗೆ ಸೂಚಿಸಿದರು.

ಶಾಮನೂರು ಗ್ರಾಮ ಡಾಲರ್ಸ್ ಕಾಲೋನಿಯಲ್ಲಿ ಕೊಳಚೆ ನೀರಿನ ರಾಜ ಕಾಲುವೆಗೆ ಸಿ.ಸಿ. ಚರಂಡಿ ಹಾಗೂ ಡಕ್ ಸ್ಲ್ಯಾಬ್ ನಿರ್ಮಾಣ ಮಾಡುವಂತೆ ನಾಗರೀಕರ ಪರವಾಗಿ ಎಸ್.ಎಂ.ಪ್ರಭುದೇವಯ್ಯ ಹಾಗೂ ಕೆ.ಜಿ.ಲಕ್ಷ್ಮಿಕಾಂತ ಮನವಿ ಸಲ್ಲಿಸಿದರು. ಜಿಲ್ಲಾಧಿಕಾರಿ ಶೀಘ್ರದಲ್ಲಿ ಸಮಸ್ಯೆಯನ್ನು ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ವಿದ್ಯಾರ್ಥಿ ಮಯೂರ್ ಬಿಸೆ ಅರ್ಜಿ ಸಲ್ಲಿಸಿ ಪಿಯುಸಿಯಲ್ಲಿ ಶೇಕಡ 84ರಷ್ಟು ಫಲಿತಾಂಶ ಹೊಂದಿ ಇಂಜಿನಿಯರಿಂಗ್ ಮಾಡುತ್ತಿದ್ದು, ನನ್ನ ತಂದೆ ಒಂದು ಎಕರೆ ಜಮೀನಿನಲ್ಲಿ ಕೃಷಿ ಮಾಡುತ್ತಿದ್ದಾರೆ. ಇದೀಗ ನಾನು ಇಂಜಿನಿಯರಿಂಗ್ ಮಾಡುತ್ತಿದ್ದು ನನಗೆ ಬಿಸಿಎಂ ಹಾಸ್ಟೆಲ್ ಅಲ್ಲಿ ಸೀಟ್ ಸಿಗದ ಕಾರಣ ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತಿದೆ ಎಂದರು.

ಇದಕ್ಕೆ ಜಿಲ್ಲಾಧಿಕಾರಿ ನಿನ್ನ ತಂದೆಯೊಂದಿಗೆ ನೀನು ಕೃಷಿಯಲ್ಲಿ ತೊಡಗಿಕೊಂಡು ನಿಮ್ಮ ಜಮೀನನ್ನು ಉನ್ನತಿಕರಣಗೊಳಿಸಬಹುದು ಎಂಬ ಸಲಹೆಗೆ ವಿದ್ಯಾರ್ಥಿ ಪ್ರತಿಕ್ರಿಯಿಸಿ ನನ್ನ ತಂದೆ ನನ್ನ ಹಾಗೆ ನೀನು ಕಷ್ಟಪಡಬೇಡ. ಉನ್ನತ ಮಟ್ಟದ ವಿದ್ಯಾಭ್ಯಾಸ ಪಡೆದು ಉದ್ಯೋಗ ಪಡೆದುಕೊಳ್ಳಬೇಕು ಎಂದಿದ್ದಾರೆ ಎಂದು ತಿಳಿಸಿದ. ಅದಕ್ಕೆ ಜಿಲ್ಲಾಧಿಕಾರಿಗಳು ಹಿಂದುಳಿದ ವರ್ಗಗಳ ಅಧಿಕಾರಿಗಳಿಗೆ ಸೂಚನೆ ನೀಡಿ ಈ ವಿದ್ಯಾರ್ಥಿಗೆ ಕೂಡಲೇ ಹಾಸ್ಟೆಲ್ ಸಿಗುವಂತೆ ನೋಡಿಕೊಳ್ಳಿ ಎಂದು ಆದೇಶಿಸಿದರು.

ಇದೇ ವೇಳೆ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಎಸ್.ಆರ್.ಗಂಗಪ್ಪ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಮಂಜನಾಯ್ಕ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ರೇಷ್ಮ ಕೌಸರ್ ಮನವಿ ಮಾಡಿ, ಶಾಮನೂರಿಗೆ ಇರುವ ನಗರ ಸಾರಿಗೆಯನ್ನ ಜೆ.ಹೆಚ್.ಪಟೇಲ್ ಬಡಾವಣೆಯ ಮಹಿಳಾ ವಿದ್ಯಾರ್ಥಿ ನಿಲಯದವರೆಗೆ ವಿಸ್ತರಿಸಿದರೆ ವಿದ್ಯಾರ್ಥಿಗಳಿಗೆ ಹಾಗೂ ಸ್ಥಳೀಯ ನಾಗರೀಕರಿಗೆ ಅನುಕೂಲವಾಗುವುದಾಗಿ ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಕೆಎಸ್‍ಆರ್‍ಟಿಸಿ ಅಧಿಕಾರಿಗೆ ಸೂಚನೆ ನೀಡಿ ಈ ಬೇಡಿಕೆ ಕಳೆದ ವರ್ಷದಿಂದ ಇದ್ದು, ಈ ಕೂಡಲೇ ಅಂದರೆ ನಾಳೆಯಿಂದ ಅಲ್ಲಿಗೆ ಬಸ್ ಸಂಚಾರವನ್ನು ವಿಸ್ತರಿಸಲು ಆದೇಶಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ವಿಜಯ್ ಮಹಾಂತೇಶ್ ದಾನಮ್ಮನವರ್, ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ, ಉಪವಿಭಾಗಧಿಕಾರಿ ಮಮತ ಹೊಸಗೌಡರ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ನಜ್ಮಾ, ದೂಡ ಆಯುಕ್ತ ಬಿ.ಟಿ.ಕುಮಾರಸ್ವಾಮಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ವಿಶ್ವ ಮೊಸಳೆಗಳ ದಿನ ; ಮೊಸಳೆ ಬಗ್ಗೆ ನಿಮಗಿಷ್ಟು ತಿಳಿದಿರಲಿ

Published

on

  • ಸಂಜಯ್ ಹೊಯ್ಸಳ

ಪ್ರತಿ ವರ್ಷದ ಜೂನ್ 17 ನ್ನು ವಿಶ್ವ ಮೊಸಳೆ ದಿನವನ್ನಾಗಿ ಆಚರಿಸಲಾಗುತ್ತದೆ. ವಿಶ್ವದಲ್ಲಿ ಪ್ರಮುಖವಾಗಿ 24 ಜಾತಿಯ ಮೊಸಳೆಗಳಿದ್ದು, ಭಾರತದಲ್ಲಿ ಸದ್ಯಕ್ಕೆ 3 ಪ್ರಬೇಧದ ಮೊಸಳೆ ಸಂತತಿಗಳಿವೆ. ಅವುಗಳೆಂದರೆ..

ಉಪ್ಪು ನೀರಿನ ಮೊಸಳೆ (Saltwater crocodile) 
ಮಗ್ಗರ್/ಮಾರ್ಷ್ (Mugger)
ಘಾರಿಯಲ್ (Gharial)

ಇವುಗಳಲ್ಲಿ ಕರ್ನಾಟಕದಲ್ಲಿನ ನದಿಗಳಲ್ಲಿ, ಕೆಲವು ದೊಡ್ಡ ಕೆರೆಗಳಲ್ಲಿ ಕಂಡುಬರುವ ಮೊಸಳೆಗಳು ಮಗ್ಗರ್/ಮಾರ್ಷ್ ಮೊಸಳೆಗಳಾಗಿವೆ. ಕರ್ನಾಟಕದಲ್ಲಿ ಮೊಸಳೆಗಳು ಹೆಚ್ಚಾಗಿ ಉತ್ತರ ಕನ್ನಡ ಜಿಲ್ಲೆಯ ಕಾಳಿ ನದಿ ಪಾತ್ರದಲ್ಲಿ ಕಂಡುಬರುತ್ತವೆ. ಇತ್ತೀಚೆಗೆ ಮೊಸಳೆಯ ದವಣೆಗೆ ಸಿಲುಕಿ‌ ಕೆಲವು ಸಾವು ನೋವಿನ ಪ್ರಕರಣಗಳು ಆ ಭಾಗದಲ್ಲಿ ವರದಿಯಾಗಿವೆ‌.

ಇನ್ನು ಉತ್ತರ ಕರ್ನಾಟಕದ ಭಾಗದ ಕೆಲವು ಪ್ರಮುಖ ನದಿಗಳ ಪಾತ್ರದಲ್ಲೂ ಮೊಸಳೆಗಳು ಆಗಾಗ್ಗೆ ಕಂಡುಬರುತ್ತವೆ. ನಾನು ನೋಡಿದಂತೆ ಉತ್ತರ ಕರ್ನಾಟಕ ಭಾಗಕ್ಕೆ ಹೋಲಿಸಿದರೆ ದಕ್ಷಿಣ ಕರ್ನಾಟಕ ಭಾಗದಲ್ಲಿ ಮೊಸಳೆಗಳ ದಾಳಿ ಪ್ರಕರಣಗಳು ತುಂಬಾ ಕಡಿಮೆ ಎನ್ನಬಹುದು. ಈ‌ ಭಾಗದ ನದಿಗಳಲ್ಲಿ ಮೊಸಳೆಗಳ ಸಂಖ್ಯೆ ಕಡಿಮೆ ಇರುವುದು ಇದಕ್ಕೆ ಕಾರ ಇರಬಹುದು.

ಕಾವೇರಿ ನದಿಯಲ್ಲಿ ಅತಿಹೆಚ್ಚು ಮೊಸಳೆಗಳು‌ ಕಂಡು ಬರುವುದು ಮಂಡ್ಯದ ಶ್ರೀರಂಗಪಟ್ಟಣ ತಾಲ್ಲೂಕಿನ ವಿಶ್ವವಿಖ್ಯಾತ ಪಕ್ಷಿ ಧಾಮವಾದ ರಂಗನತಿಟ್ಟು ಪಕ್ಷಿಧಾಮದಲ್ಲಿ. ಹಿಂದೆ ಪಂಚತಂತ್ರದಲ್ಲಿ ಮೊಸಳೆ ಮತ್ತು ಕೋತಿ‌ಕತೆಯಲ್ಲಿ ಮೊಸಳೆಯ ಹೆಂಡತಿಗೆ ಕೋತಿ‌ ನೇರಳೆ ಹಣ್ಣುಗಳನ್ನು ಹೊತ್ತೊಯ್ಯುವ ಕತೆಯಲ್ಲಿ ಗಂಡ ಮತ್ತು‌ ಹೆಂಡತಿ‌ ಮೊಸಳೆಯನ್ನು ಕಲ್ಪಿಸಿಕೊಂಡು ಮಾತ್ರ ನಾನು ಮೊದಲು ಅವುಗಳ ಸಹಜ ಆವಾಸಸ್ಥಾನದಲ್ಲಿ ಮೊಸಳೆಯನ್ನು ನೋಡಿದ್ದು ನಾಗರಹೊಳೆ ಅರಣ್ಯ ವ್ಯಾಪ್ತಿಯಲ್ಲಿ ಹರಿಯುವ ಲಕ್ಷ್ಮಣತೀರ್ಥ ನದಿಯಲ್ಲಿ. ನಂತರ ಬಂಡೀಪುರ ದಟ್ಟಡವಿಯಲ್ಲಿ ಹರಿಯುವ ಮೂಲೆಹೊಳೆ/ ನುಗು ನದಿಯಲ್ಲಿ…‌ ನಂತರದ ದಿನಗಳಲ್ಲಿ ಕಬಿನಿ, ಪಾಲರ್ ಸೇರಿ ಬಹಳಷ್ಟು ಕಡೆ ಬಹಳಷ್ಟು ಮೊಸಳೆಗಳನ್ನು ನೋಡುವ ಅವಕಾಶ ಸಿಕ್ಕಿತು.

ಘಾರಿಯಲ್ ಗಳು ತುಂಬಾ ಅಪರೂಪದ ಮೊಸಳೆ ಸಂತತಿಗಳಾಗಿದ್ದು, ಸದ್ಯ ಉತ್ತರ ಭಾರತದ ಕೆಲವು ನದಿಗಳು ಹಾಗೂ ನೇಪಾಳದಲ್ಲಿ ಮಾತ್ರ ಇವು ಕಾಣಸಿಗುತ್ತಿವೆ. ಇವುಳನ್ನು IUCN red list ಗೆ ಸೇರಿಸಿದ್ದು, ಇವುಗಳ ಸಂರಕ್ಷಣೆಗೆ ವಿಶೇಷ ಗಮನ ನೀಡಲಾಗಿದೆ.

ನಮಗೆಲ್ಲಾ ಗೊತ್ತಿರುವಂತೆ ಜೀವವೈವಿಧ್ಯತೆಯ ರಕ್ಷಣೆಯಲ್ಲಿ ಎಲ್ಲಾ ಜೀವಿಗಳ‌ ಇರುವಿಕೆ ಬಹಳ ಮುಖ್ಯ. ಜಲಚರಗಳಲ್ಲಿ ಅಗ್ರ ಪರಪಕ್ಷಕಗಳಲ್ಲಿ ಒಂದೆನಿಸಿದ ಮೊಸಳೆ ಜಲಚರ ಜೀವಿಗಳ ಸಮತೋಲನ ಸಾಧಿಸಿ ಅಲ್ಲಿನ ಜೀವವೈವಿಧ್ಯ ಕಾಪಾಡುವಲ್ಲಿ ಇವು ಪ್ರಮುಖ ಪಾತ್ರ ವಹಿಸುತ್ತವೆ. ಹೀಗಾಗಿ ನಾವು ಮೊಸಳೆಗಳನ್ನು ಕೂಡ ಇತರ ಪ್ರಾಣಿಗಳಂತೆ ರಕ್ಷಿಸಬೇಕು.

ಮುಖ್ಯವಾಗಿ ಅವುಗಳ ಆವಾಸಸ್ಥಾನವಾದ ನದಿ, ಸರೋವರದಂತಹ ಜಲಮೂಲಗಳನ್ನು ಸಂರಕ್ಷಿಸಬೇಕು. ಅಲ್ಲಿ ಅಕ್ರಮ ಮರಳುಗಾರಿಗೆ ತಡೆದು, ಜಲಮಾಲಿನ್ಯ ನಿಯಂತ್ರಣ ಮಾಡಬೇಕು. ಹಾಗೆ ಪ್ಲಾಸ್ಟಿಕ್ ತ್ಯಾಜ್ಯಗಳು ನದಿ, ಸರೋವರಗಳನ್ನು ಸೇರದಂತೆ ಕ್ರಮವಹಿಸಬೇಕು. ಹಾಗೆಯೇ ಎಲ್ಲಾದರೂ ಮೊಸಳೆಗಳು ಕಂಡುಬಂದರೆ ಗಾಬರಿಯಾಗದೆ ತಕ್ಷಣ ಅರಣ್ಯ ಇಲಾಖೆಯ ಗಮನಕ್ಕೆ ತರಬೇಕು. (ಬರಹ:ಸಂಜಯ್ ಹೊಯ್ಸಳ,ಫೇಸ್ ಬುಕ್ ನಿಂದ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಜುಲೈ 1 ರಿಂದ ಹೊಸ ಕ್ರಿಮಿನಲ್ ಕಾನೂನು ಜಾರಿ

Published

on

ಸುದ್ದಿದಿನಡೆಸ್ಕ್:ಹೊಸ ಕ್ರಿಮಿನಲ್ ಕಾನೂನುಗಳನ್ನು ಜಾರಿಗೆ ತರುವ ನಿರ್ಧಾರವನ್ನು ಕೇಂದ್ರ ಸರ್ಕಾರ ಮರು ಪರಿಶೀಲಿಸುತ್ತಿಲ್ಲ ಎಂದು ಕೇಂದ್ರ ಕಾನೂನು ಮತ್ತು ನ್ಯಾಯ ಖಾತೆ ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಸ್ಪಷ್ಟಪಡಿಸಿದ್ದಾರೆ.

ಭಾರತೀಯ ದಂಡ ಸಂಹಿತೆ 1860, ಭಾರತೀಯ ಸಾಕ್ಷ್ಯ ಕಾಯ್ದೆ 1872 ಮತ್ತು ಅಪರಾಧ ಪ್ರಕ್ರಿಯಾ ಸಂಹಿತೆ 1973 ಅನ್ನು ಬದಲಿಸುವ ಕಾನೂನುಗಳು ಜುಲೈ 1 ರಿಂದ ಜಾರಿಗೆ ಬರಲಿವೆ ಎಂದು ಅವರು ಹೇಳಿದ್ದಾರೆ. ಭಾರತೀಯ ನ್ಯಾಯ್ ಸಂಹಿತಾ, ಭಾರತೀಯ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷ್ಯ ಅಧಿನಿಯಮ್ ಎಂಬ ಹೊಸ ಕ್ರಿಮಿನಲ್ ಕಾನೂನುಗಳು ಜುಲೈ 1 ರಿಂದ ಜಾರಿಗೆ ಬರಲಿವೆ ಎಂದು ತಿಳಿಸಿದ್ದಾರೆ.

“ಐಪಿಸಿ, ಸಿಆರ್‌ಪಿಸಿ ಹಾಗೂ ಭಾರತೀಯ ಸಾಕ್ಷ್ಯ ಕಾಯ್ದೆಗಳು ಬದಲಾಗುತ್ತಿವೆ. ಸೂಕ್ತ ಸಮಾಲೋಚನೆ ಪ್ರಕ್ರಿಯೆ ಅನುಸರಣೆ ಹಾಗೂ ಕಾನೂನು ಆಯೋಗದ ವರದಿಗಳನ್ನು ಗಮನದಲ್ಲಿಟ್ಟುಕೊಂಡು ಈ ಮೂರು ಕಾನೂನುಗಳನ್ನು ಬದಲಾಯಿಸಲಾಗಿದೆ” ಎಂದು ಮೇಘವಾಲ್ ತಿಳಿಸಿದರು.”

ಈ ಮೂರು ಕಾನೂನುಗಳನ್ನು ಜುಲೈ 1 ರಿಂದ ಭಾರತೀಯ ನ್ಯಾಯ್ ಸಂಹಿತಾ, ಭಾರತೀಯ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷ್ಯ ಅಧಿನಿಯಮ್ ಎಂಬ ಹೆಸರಿನಲ್ಲಿ ಜಾರಿಗೆ ತರಲಾಗುವುದು. ಮೂರು ಹೊಸ ಕಾನೂನುಗಳ ತರಬೇತಿ ಸೌಲಭ್ಯಗಳನ್ನು ಎಲ್ಲಾ ರಾಜ್ಯಗಳಿಗೂ ಒದಗಿಸಲಾಗುತ್ತಿದೆ” ಎಂದು ಮೇಘವಾಲ್ ವಿವರಿಸಿದ್ದಾರೆ.”

ನಮ್ಮ ನ್ಯಾಯಾಂಗ ಅಕಾಡೆಮಿಗಳು, ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯಗಳು ಸಹ ಈ ಬಗ್ಗೆ ತರಬೇತಿ ನೀಡುತ್ತಿವೆ. ಎಲ್ಲವೂ ಜೊತೆಜೊತೆಯಾಗಿ ಸಾಗುತ್ತಿದೆ ಮತ್ತು ಜುಲೈ 1 ರಿಂದ, ಕ್ರಿಮಿನಲ್ ನ್ಯಾಯ ವ್ಯವಸ್ಥೆಗೆ ನಿರ್ಣಾಯಕವಾದ ಈ ಎಲ್ಲಾ ಮೂರು ಕಾನೂನುಗಳನ್ನು ದೇಶದಲ್ಲಿ ಜಾರಿಗೆ ತರಲಾಗುವುದು” ಎಂದು ಅವರು ಸ್ಪಷ್ಟಪಡಿಸಿದರು.

ದೇಶದಲ್ಲಿ ಅಪರಾಧ ನ್ಯಾಯ ಸುಧಾರಣೆಯು ದೇಶದ ನ್ಯಾಯದಾನ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಯನ್ನು ಇದು ಸೂಚಿಸುತ್ತದೆ. ಮಹಿಳೆಯರು, ಮಕ್ಕಳು ಮತ್ತು ರಾಷ್ಟ್ರದ ವಿರುದ್ಧದ ಅಪರಾಧಗಳನ್ನು ಇದು ಮುಂಚೂಣಿಯಲ್ಲಿರಿಸುತ್ತದೆ. ಅಲ್ಲದೆ ಇದು ವಸಾಹತುಶಾಹಿ ಯುಗದ ಕಾನೂನುಗಳಿಗೆ ಸಂಪೂರ್ಣವಾಗಿ ವಿರುದ್ಧವಾಗಿದೆ ಎಂದು ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕರ್ನಾಟಕದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ; ವ್ಯಾಪಕ ಟೀಕೆ

Published

on

ಸುದ್ದಿದಿನಡೆಸ್ಕ್: ಕರ್ನಾಟಕದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಸರ್ಕಾರದ ಕ್ರಮವನ್ನು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಟೀಕಿಸಿದ್ದಾರೆ.

ರಾಜ್ಯ ಸರ್ಕಾರ ಮೊನ್ನೆಯಿಂದ ಜಾರಿಗೆ ಬರುವಂತೆ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ಹೆಚ್ಚಿಸಿದ ನಂತರ ರಾಜ್ಯದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 3 ರೂಪಾಯಿ ಹಾಗೂ ಡೀಸೆಲ್ 3.5 ರೂಪಾಯಿಗಳಷ್ಟು ಹೆಚ್ಚಿಸಲಾಗಿದೆ. ಪ್ರತಿ ಕುಟುಂಬದ ಮಹಿಳೆಗೆ ತಿಂಗಳಿಗೆ 8 ಸಾವಿರದ 500 ರೂಪಾಯಿಗಳನ್ನು ವರ್ಗಾವಣೆ ಮಾಡುವ ಭರವಸೆಯನ್ನು ಈಡೇರಿಸುವ ಬದಲು, ಕಾಂಗ್ರೆಸ್ ಆಡಳಿತದ ಕರ್ನಾಟಕ ಸರ್ಕಾರವು, ರಾಜ್ಯದ ಜನರಿಗೆ ಹೊರೆಯಾಗಿದೆ ಎಂದು ಹರ್ದೀಪ್ ಸಿಂಗ್ ಪುರಿ ಸಾಮಾಜಿಕ ಜಾಲತಾಣದಲ್ಲಿ ದೂರಿದ್ದಾರೆ. ಇಂತಹ ನಿರ್ಧಾರ ಹಣದುಬ್ಬರದ ಬಗ್ಗೆ ಮಾತನಾಡುವ ಕಾಂಗ್ರೆಸ್‌ನ ಬೂಟಾಟಿಕೆ ಬಹಿರಂಗಪಡಿಸುತ್ತದೆ. ಆದರೆ ಬಿಜೆಪಿ ಆಡಳಿತವಿರುವ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಪ್ರತಿ ಲೀಟರ್‌ಗೆ ಸುಮಾರು 8 ರೂಪಾಯಿಗಳಿಂದ 12 ರೂಪಾಯಿಗಳಷ್ಟು ಹೆಚ್ಚುವರಿ ವ್ಯಾಟ್ ಅನ್ನು ವಿಧಿಸುತ್ತಿದೆ ಎಂದು ಸಚಿವರು ಆರೋಪಿಸಿದ್ದಾರೆ.

ಈ ವಿಚಾರದ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಖಾತೆ ಸಚಿವ ಪ್ರಲ್ಹಾದ್ ಜೋಶಿ, ರಾಜ್ಯ ಸರ್ಕಾರ ಮುಂದಾಲೋಚನೆ ಇಲ್ಲದೇ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು, ಈಗ ಆರ್ಥಿಕ ಹೊರೆ ತಡೆಯಲು ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ ಮಾಡಿದೆ ಎಂದು ಹುಬ್ಬಳ್ಳಿಯಲ್ಲಿ ಆರೋಪಿಸಿದ್ದಾರೆ.

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ಬಸ್ ದರ, ಹಾಲಿನ ದರ, ಅಗತ್ಯ ವಸ್ತುಗಳ ದರ ಹೆಚ್ಚಲಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಆಡಳಿತದ ವ್ಯವಸ್ಥೆ ಕುಸಿದುಹೋಗಿದೆ ಎಂದು ದೂರಿದ ಅವರು, ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ಹೋರಾಟ ನಡೆಸಲಾಗುವುದು ಎಂದು ಪ್ರಲ್ಹಾದ್ ಜೋಶಿ ಎಚ್ಚರಿಕೆ ನೀಡಿದ್ದಾರೆ.

ಮತ್ತೊಂದೆಡೆ, ರಾಜ್ಯದಲ್ಲಿ ಪೆಟ್ರೋಲ್, ಡಿಸೇಲ್ ದರ ಏರಿಕೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ. ವ್ಯಾಟ್ ಹೆಚ್ಚಳ ಬಳಿಕ ದಕ್ಷಿಣ ಭಾರತದ ರಾಜ್ಯಗಳಿಗಿಂತ ಕರ್ನಾಟಕದಲ್ಲಿಯೇ ದರ ಕಡಿಮೆ ಇದೆ. ಆರ್ಥಿಕವಾಗಿ ಬಲಿಷ್ಠವಾಗಿರುವ ಮಹಾರಾಷ್ಟ್ರಕ್ಕಿಂತಲ್ಲೂ ಹಾಗೂ ಗುಜರಾತ್ ಮತ್ತು ಮಧ್ಯಪ್ರದೇಶಕ್ಕಿಂತಲ್ಲೂ ನಮ್ಮ ರಾಜ್ಯದಲ್ಲಿ ದರ ಕಡಿಮೆ ಇದೆ ಎಂದು ಹೇಳಿದ್ದಾರೆ.

ಈ ಹಿಂದಿನ ಬಿಜೆಪಿ ಸರ್ಕಾರ ತೆರಿಗೆ ಕಡಿಮೆ ಮಾಡಿದ್ದರೂ, ಕೇಂದ್ರ ಸರ್ಕಾರ ಪದೇ ಪದೆ ವ್ಯಾಟ್ ಹೆಚ್ಚಳ ಮಾಡಿತ್ತು ಎಂದು ಆರೋಪಿಸಿದ್ದಾರೆ. ರಾಜ್ಯದ ತೆರಿಗೆ ಹೆಚ್ಚಳದಿಂದ ಅಭಿವೃದ್ಧಿ ಕೆಲಸಗಳಿಗೆ ಹೆಚ್ಚು ಒತ್ತು ನೀಡಲಾಗುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending