Connect with us

ನೆಲದನಿ

ದಮನಿತರ ಬದುಕಿನ ಆಶಾಕಿರಣ ಮಂಜಮ್ಮ ಜೋಗತಿಯ ಕಲಾ ಬದುಕು

Published

on

ಜಾನಪದ ಸಿರಿವಂತಿಕೆ ಎಂಬುದು ಒಂದು ನಾಡಿನ ಪ್ರಾದೇಶಿಕ ವೈಶಿಷ್ಟ್ಯತೆಯ ಪ್ರತೀಕವಾಗಿರುತ್ತದೆ. ಇಂತಹ ಜಾನಪದವು ಪ್ರಾದೇಶಿಕ ಸತ್ವವನ್ನು ಅರಿಯುವುದಕ್ಕೆ, ಗುರುತಿಸುವುದಕ್ಕೆ ಸಹಕಾರಿಯಾಗುತ್ತದೆ. ಒಂದು ನಾಡಿನ ಜನರ ಜೀವಂತ ಸಾಹಿತ್ಯವಾಗಿರುವ ಜನಪದವು ಸಾಮಾನ್ಯರ ಬದುಕಿನೊಂದಿಗೆ ಬೆರೆತುಕೊಂಡಿರುತ್ತದೆ. ಇಂತಹ ಜಾನಪದಕ್ಕೂ ಬಡತನದ ಬದುಕಿಗೂ ಅವಿನಾಭಾವ ಸಂಬಂಧವಿದೆ. ಜಾನದಪ ಕಲೆಗಳು ಇಂದಿಗೂ ಜೀವಂತವಾಗಿರುವುದು ಬಡವರ ಗುಡಿಸಲುಗಳಲ್ಲೆ. ಹೀಗಾಗಿ ಜಾನಪದ ಸಿರಿವಂತಿಕೆಗೆ ಆಶ್ರಯ ತಾಣಗಳಾಗಿರುವುದು ಬಡವರ ಗುಡಿಸಲುಗಳೆ. ಆದ್ದರಿಂದ ಜಾನಪದಕ್ಕೂ ಬಡತನದ ಬದುಕಿಗೂ ಬಿಡಿಸಲಾರದ ಬಂಧವೊಂದಿದೆ. ಈ ಬಂಧವು ಚರಿತೆಯುದ್ಧಕ್ಕೂ ತನ್ನ ನಿರಂತರವಾದ ಪಯಣವನ್ನು ಮುಂದುವರೆಸಿಕೊಂಡು ಬಂದಿದೆ.

ಇಂತಹ ನಾಡಿನ ಜೀವನಾಡಿಯಾದ ಜಾನಪದ ಕಲೆಯನ್ನು ತಮ್ಮ ಬದುಕಿನ ಭಾಗವಾಗಿ ಕಾಪಾಡಿಕೊಂಡು ಬಂದವರಲ್ಲಿ ಮಂಜಮ್ಮ ಜೋಗತಿಯವರು ಒಬ್ಬರಾಗಿದ್ದಾರೆ. ಇವರು ಜಾನಪದದ ವಿವಿಧ ಪ್ರಕಾರಗಳಲ್ಲಿ ಒಂದಾಗಿರುವ ಜೋಗತಿ ನೃತ್ಯ ಹಾಗೂ ಹಾಡುಗಾರಿಕೆ ಪರಂಪರೆಯನ್ನು ಮುಂದುವರೆಸಿಕೊಂಡು ಬಂದಿದ್ದು ಮಾತ್ರವಲ್ಲದೆ ಈ ಸಾಹಿತ್ಯ ಪ್ರಕಾರದ ಉಳಿವಿಗಾಗಿ ಅವಿರತ ಶ್ರಮವನ್ನು ವ್ಯಕ್ತಪಡಿಸಿದ್ದಾರೆ. ಹೀಗಾಗಿ ಮಂಜಮ್ಮ ಜೊಗತಿಯು ನಾಡು ಕಂಡ ‘ಜೋಗತಿ ಸಿರಿ’ಯಾಗಿ ಕಂಡುಬರುತ್ತಾರೆ. ಇಂತಹ ಜಾನಪದ ಸಿರಿಯ ಕಲಾ ಬದುಕಿನ ಸುತ್ತ ಅಂತರ್ಗತವಾಗಿರುವ ಸಂಕಥನವನ್ನು ಗುರುತಿಸುವ ಉದ್ಧೇಶವನ್ನು ಪ್ರಸ್ತುತ ಲೇಖನವು ಒಳಗೊಂಡಿದೆ.

ಜಗತ್ತಿನ ಪ್ರತಿಯೊಂದು ಕುಟುಂಬಗಳಲ್ಲಿ ತಂದೆ ತಾಯಂದಿರು ಕೂಡ ತಮ್ಮ ಮಕ್ಕಳು ಒಳ್ಳೆಯ ವಿದ್ಯಾವಂತರಾಗಬೇಕು, ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಿ ಗುರುತಿಸಿಕೊಳ್ಳಬೇಕು. ಯಾರ ಮುಂದೆಯೂ ತಗ್ಗಿ ನಡೆಯುವಂತಾಗಬಾರದು ಎಂದೆಲ್ಲ ಕನಸು ಕಟ್ಟಿರುತ್ತಾರೆ. ತಮ್ಮ ಮಕ್ಕಳು ಸಮಾಜ ಘಾತುಕರಿರಲಿ, ಬರೀ ಸುಳ್ಳು ಹೇಳಿದರೂ ತಂದೆ ತಾಯಿಗಳು ಸಹಿಸಿಕೊಳ್ಳುವುದಿಲ್ಲ. ವಾಸ್ತವ ಹೀಗಿರುವಾಗ ತಮ್ಮ ವಂಶವನ್ನು ಬೆಳಗಬೇಕಾದ ಗಂಡು ಮಗ ಹೆಣ್ಣಾಗಿ ವರ್ತಿಸುತ್ತಿದ್ದಾನೆ, ಇಲ್ಲವೇ ಹೆಣ್ಣಾಗಿ ಪರಿವರ್ತನೆಯಾಗುತ್ತಾನೆ ಎಂದರೆ ಯಾರು ತಾನೇ ಸಹಿಸಿಕೊಳ್ಳಲು ಸಾಧ್ಯ. ಅದೂ ಭಾರತದಂತಹ ಸಾಂಪ್ರದಾಯಿಕ ನಾಡಿನಲ್ಲಿ ಊಹಿಸಿಕೊಳ್ಳುವುದು ಕಷ್ಟವೆ. ಇಂತಹ ಸಂಕಷ್ಟವೊಂದು ಬಾಲ್ಯದ ದಿನಗಳಲ್ಲಿ ಮಂಜಮ್ಮ ಜೋಗತಿಯ ಕುಟುಂಬವನ್ನು ಪ್ರವೇಶಿಸಿತು. ಮಂಜಮ್ಮನ ದೈಹಿಕ ಕ್ರಿಯೆಯಲ್ಲಾದ ಈ ಬದಲಾವಣೆಯು ಜೈವಿಕ ಕ್ರಿಯೆಯಾಗಿರಬಹುದು. ಆದರೆ ಸಾಂಪ್ರದಾಯಿಕ ಸಮಾಜದಲ್ಲಿ ಇದನ್ನು ನೋಡುವ ದೃಷ್ಟಿಕೋನ ತುಂಬಾ ತಮ್ಮ ಕೆಳ ಮಟ್ಟದ್ದಾಗಿರುತ್ತದೆ. ಮಂಜುನಾಥ ತನ್ನ ಜೈವಿಕ ಒತ್ತಡಗಳಿಂದ ಮಂಜಮ್ಮನಾಗುವ ಸನ್ನವೇಶದಲ್ಲಿ ಅನುಭವಿಸಿದ ಯಾತನೆಗಳು ತುಂಬಾ ತ್ರಾಸದಾಯಕವಾಗಿದ್ದವು. ಇಲ್ಲಿ ಮಂಜಮ್ಮನನ್ನು ಕಾಡಿದ, ಸಂಕಷ್ಟಕ್ಕೆ ದೂಡಿದ ಘಟನೆಗಳಿಗೆ ಮಂಜಮ್ಮನ್ನ ಕುಟುಂಬ ನೇರ ಹೊಣೆಯಲ್ಲ. ಮಂಜುನಾಥ ತನ್ನ ಸಹಜ ಜೈವಿಕ ಸ್ವಭಾವಗಳಲ್ಲಿ ಹೆಣ್ಣಾಗಿ ಪರಿವರ್ತನೆಯಾಗುವುದನ್ನು ತಡೆಯಲು ಸಾಧ್ಯವಿಲ್ಲ ಎಂಬುದು ತನ್ನ ಕುಟುಂಬಕ್ಕೆ ಸಂಪೂರ್ಣವಾದ ಅರಿವಿದೆ. ಆದರೆ ತನ್ನ ಕುಟುಂಬದ ಸುತ್ತಮುತ್ತಲಿನ ಸಮಾಜದಲ್ಲಿ ಅಪಮಾನಕ್ಕೆ ಗುರಿಯಾಗಬೇಕಾದ ಒತ್ತಡಗಳಲ್ಲಿ ಉಂಟಾದ ಸಂಘರ್ಷವೇ ಮಂಜಮ್ಮನನ್ನು ಗಂಡಸ್ಸಾಗಿಯೇ ಉಳಿಯುವಂತೆ ಒತ್ತಾಯ ನಡೆದಿವೆ. ಈ ಒತ್ತಾಯದ ಭಾಗವಾದ ಹಿಂಸೆ ಮತ್ತು ಅವಮಾನಗಳು ಅವರ ಬದುಕಿನಲ್ಲಿ ಹಲವಾರು ತಲ್ಲಣಗಳನ್ನು ಮೂಡಿಸಿವೆ.

ಜೋಗತಿ ಮಂಜಮ್ಮಅವರೊಂದಿಗೆ ಲೇಖಕರು

ಮಂಜಮ್ಮ ಜೋಗತಿಯು ಶ್ರೀ ಹನುಮಂತಯ್ಯ ಶೆಟ್ಟಿ, ಶ್ರೀಮತಿ ಜಯಲಕ್ಷ್ಮೀಯವ ಪುತ್ರನಾಗಿ ಬಳ್ಳಾರಿ ಜಿಲ್ಲೆಯ ಕಲ್ಲುಕಂಬ ಗ್ರಾಮದಲ್ಲಿ ಜನಿಸಿದವರು. ಇವರ ತಂದೆ ತಾಯಿಗೆ ಇಪ್ಪತ್ತೊಂದು ಜನ ಮಕ್ಕಳಲ್ಲಿ ಮಂಜಮ್ಮ ಜೋಗತಿಯು ಒಬ್ಬರಾಗಿದ್ದರು. ಈ ಇಪ್ಪತ್ತೊಂದು ಜನ ಮಕ್ಕಳಲ್ಲಿ ಉಳಿದುಕೊಂಡಿದ್ದು ಮಾತ್ರ ಇಬ್ಬರು ಗಂಡು ಮಕ್ಕಳು ಮತ್ತು ಇಬ್ಬರು ಹೆಣ್ಣು ಮಕ್ಕಳು ಮಾತ್ರ. ಈ ಇಬ್ಬರು ಗಂಡು ಸಂತಾನಗಳಲ್ಲಿ ಮಂಜಮ್ಮ (ಮಂಜುನಾಥ) ಒಬ್ಬರಾಗಿದ್ದರು. ಆದ್ದರಿಂದ ಇಲ್ಲಿ ಉಳಿದ ಎರಡು ಗಂಡು ಸಂತಾನಗಳಲ್ಲಿ ಒಬ್ಬರಾಗಿರುವ ಮಂಜುನಾಥ ಕೃಷ್ಣನಂತಾಗಿ ತಮ್ಮ ವಂಶವನ್ನು ಬೆಳಗುತ್ತಾನೆ ಎಂಬುದು ತಂದೆ ತಾಯಿಗಳ ಆದಮ್ಯ ಬಯಕೆಯಾಗಿತ್ತು. ಆದರೆ ವಿಧಿಯಾಟವೇ ಬೇರೆಯಾಗಿತ್ತು. ಕೃಷ್ಣನಂತಾಗಿ ವಂಶ ಬೆಳಗಬೇಕಾದ ಮಗ ಬೃಹನ್ನಳೆಯಂತಾದಾಗ ತಂದೆ ತಾಯಿಗಳಿಗೆ ತೀವ್ರತರವಾದ ಆಘಾತವನ್ನು ಮೂಡಿತ್ತು. ತಮ್ಮ ಬಾಲ್ಯದ ದಿನಗಳಿಂದಲೆ ಮಂಜಮ್ಮ ಗಂಡು ಹುಡುಗರ ಜೊತೆಯಲ್ಲಿ ಬೆರೆಯದೆ ಹೆಚ್ಚಾಗಿ ಹುಡುಗಿಯರೊಂದಿಗೆ ಬೆರೆಯುತ್ತಿದ್ದರು. ಹೆಂಗಸರು ಮಾಡುವ ಕೆಲಸಗಳಲ್ಲಿ ಹೆಚ್ಚಾಗಿ ತಮ್ಮನ್ನು ತೊಡಗಿಸಿಕೊಳ್ಳುತ್ತಿದ್ದರು. ಈ ಸಂದರ್ಭದಲ್ಲಿ ಸಮಾಜದ ಜನರಿಂದ ಹಲವಾರು ಕುಹಕದ ಮಾತುಗಳು ಹೊರಬಿದ್ದು, ಮಂಜಮ್ಮನ ಮನಸ್ಸನ್ನು ಘಾಸಿಗೊಳಿಸುತ್ತಿದ್ದವು. ಕೆಲವು ಹೆಣ್ಣು ಮಕ್ಕಳು “ಅವನ್ಯಾಕೆ ನಮ್ಮ ಜತೆ ಬರುತ್ತಾನೆ? ಈ ವಯಸ್ಸಿಗೆ ಅವನಿಗೇನು ಚಪಲ. ನೋಡೋಕೆ ಹೆಣ್ಣಿನಂಗಾಡ್ತಾನೆ, ಹೆಣ್ಣಿನ ಚಪಲ ಬ್ಯಾರೆ” ಎಂದೆಲ್ಲ ನೇರವಾಗಿ ನಿಂದಿಸುತ್ತಿದ್ದರು. ಆದರೆ ವಾಸ್ತವವಾಗಿ ಮಂಜುನಾಥನಲ್ಲಿ ಮಂಜವ್ವ ಒಡಮೂಡುತ್ತಿದ್ದಳು. ಆದರೆ ಈ ಸೂಕ್ಷ್ಮ ಅಳಲನ್ನು ಅರ್ಥೈಸುವ ಮನಸ್ಥಿತಿಯು ಯಾರಿಗೂ ಇರಲಿಲ್ಲ. ಇಂತಹ ಸಂದರ್ಭದಲ್ಲಿ ತನ್ನೆಲ್ಲ ನೋವುಗಳನ್ನು ತಾನೆ ನುಂಗಿಕೊಂಡು ಬದುಕಿನ ಹಾದಿಯನ್ನು ಕಂಡುಕೊಳ್ಳುವ ಸಾಹಸಮಯ ಬದುಕಿಗಾಗಿ ಮಂಜಮ್ಮ ತವಕಿಸಿದ್ದಾರೆ.

ಮಂಜಮ್ಮ ತನ್ನಲ್ಲಿ ಮೂಡಿದ ಹೆಣ್ತನವನ್ನು ಹೊತ್ತು ನಡೆಸಿದ ಹೋರಾಟದಲ್ಲಿ ಅವಮಾನಗಳೆ ಹೆಚ್ಚು. ಮಂಜಮ್ಮನ ದೇಹದಲ್ಲಿ ಒಡಮೂಡಿದ್ದು ಜೈವಿಕ ಕ್ರಿಯೆ. ಈ ಜೈವಿಕವಾದ ಬದಲಾವಣೆಯ ಒತ್ತಡದ ಭಾಗವಾಗಿ ಮಂಜಮ್ಮ ತಮ್ಮ ಹೆಣ್ತನವನ್ನು ಪ್ರದರ್ಶಿಸಿದರು. ಆದರೆ ಈ ಸಮಾಜದ ಕಣ್ಣಿಗೆ ಅದು ಸಹಜವಾದ ಜೈವಿಕ ಬದಲಾವಣೆಯಾಗಿರಲಿಲ್ಲ. ಅದನ್ನು ದೇವರಿಗೆ ಆರೋಪಿಸಲಾಯಿತು. ‘ಶೆಟ್ರು ಹುಡುಗ ಮಂಜುನಾಥನ ಮೈಯಾಗೆ ಹುಲಿಗೆಮ್ಮ ಬರಕತ್ಯಾಳೆ’ ಎಂದು ಆರೋಪಿಸಿದರು. ಆದರೆ ಇದರಿಂದ ಮಂಜಮ್ಮನ ಮೇಲೆ ಕುಟುಂಬದವರಿಂದ ಒತ್ತಡಗಳು ತೀವ್ರವಾದಾಗ ಮಂಜಮ್ಮ ಈ ಜೀವದ ಅಂತ್ಯಕ್ಕೆ ನಾಂದಿ ಹಾಡಲು ಮುಂದಾಗಿ ವಿಷ ಸೇವನೆ ಮಾಡಿದರು. ಆದರೆ ಅದೃಷ್ಟವಶತ್ ಇವರನ್ನು ಸಮಯಕ್ಕೆ ಸರಿಯಾಗಿ ಆಸ್ಪತ್ರೆಗೆ ಸೇರಿಸಿದ ಪರಿಣಾಮವಾಗಿ ಬದುಕುಳಿದರು. ದಾವಣಗೆರೆಯ ಸರ್ಕಾರಿ ಆಸ್ಪತ್ರೆಗೆ ಇವರನ್ನು ಸೇರಿಸಿದ ನಂತರ ಇವರ ಯೋಗಕ್ಷೇಮ ನೋಡಿಕೊಳ್ಳಲು ಯಾರು ಮುಂದೆ ಬರುವುದಿಲ್ಲ. ಇಂತಹ ಸಂದಿಗ್ಧ ಸಂದರ್ಭದಲ್ಲಿ ತನ್ನ ಜೀವನ ಹಾಗೂ ಹಸಿವನ್ನು ಪೂರೈಸಿಕೊಳ್ಳುವುದಕ್ಕಾಗಿ ಆಸ್ಪತ್ರೆಯ ರೋಗಿಗಳ ಎದುರು ದೇವಿಯ ಹಾಡು ನೃತ್ಯ ಮಾಡಿ ಜೀವನವನ್ನು ಸಾಗಿಸಿದರು. ನಂತರದಲ್ಲಿ ಸಂಪ್ರದಾಯದಂತೆ ದೇವಿಯ ದೀಕ್ಷೆ ತೆಗೆದುಕೊಂಡು ಮನೆಯಿಂದ ಹೊರ ನಡೆದ ಮಂಜವ್ವ ದಾವಣಗೆರೆಯಲ್ಲಿ ಪ್ರತ್ಯೇಕವಾದ ವಾಸ್ತವ್ಯ ಹೂಡಿದರು. ಹಲವು ಕಡೆ ನಡೆಯುವ ಸಂತೆ, ಜಾತ್ರೆಗಳಲ್ಲಿ ದೇವಿಯನ್ನು ಹೊತ್ತೊಯ್ದು ತನ್ನ ಜೀವನ ನಿರ್ವಹಣೆಗೆ ಮುಂದಾದರು.


ಮನೆಯಿಂದ ಹೊರಬಂದ ಮಂಜಮ್ಮ ತನ್ನ ಜೀವನವನ್ನು ತಾನು ಸಾಗಿಸಿಕೊಂಡು ಸ್ವಲ್ಪ ನೆಮ್ಮದಿಯನ್ನು ಕಂಡುಕೊಳ್ಳುವ ಸಂದರ್ಭದಲ್ಲಿ ಇವರ ಬದುಕನ್ನು ಘಾಸಿಗೊಳಿಸುವಂತಹ ಘಟನೆಯೊಂದು ನಡೆದು ಹೋಗಿತ್ತು. ತಾನು ಸಂಗ್ರಹಿಸಿದ ಹಣವನ್ನೆಲ್ಲ ಕೂಡಿಟ್ಟುಕೊಂಡು ಮನೆ ಬಾಡಿಗೆ ಕಟ್ಟಲು ಸಿದ್ಧ ಮಾಡಿಕೊಂಡು ಬರುವಾಗ ದಾವಣಗೆರೆಯ ಹೈಸ್ಕೂಲು ಮೈದಾನದಲ್ಲಿ ಇವರ ಮೇಲೆ ಪುಢಾರಿಗಳ ಗುಂಪೊಂದು ಅತ್ಯಾಚಾರಕ್ಕೆ ಮುಂದಾಗಿ, ಸೀರೆ ಉಟ್ಟ ಗಂಡು ದೇಹದ ಮೇಲೆ ದೌರ್ಜನ್ಯವೆಸಗಿ, ಇವರ ಬಳಿಯಿದ್ದ ಹಣವನ್ನೆಲ್ಲ ಕಸಿದುಕೊಳ್ಳುತ್ತಾರೆ. ಈ ಘಟನೆಯಿಂದ ಇವರಲ್ಲಿ ತೀವ್ರ ಮುಜುಗರ ಉಂಟಾಗುತ್ತದೆ. ಈ ಎಲ್ಲಾ ಘಟನೆಗಳನ್ನು ಮೆಟ್ಟಿನಿಂತ ಮಂಜಮ್ಮ ಸಾಧಿಸುವ ಛಲವೊತ್ತು ಮುನ್ನಡೆಯುತ್ತಾರೆ.

ಮಂಜಮ್ಮ ನಿರಂತರವಾಗಿ ತನ್ನ ಬದುಕಿನ ಹೋರಾಟವನ್ನು ಮುಂದುವರೆಸಿಕೊಂಡು ಬಂದವರು. ಇವರು ದೇವತೆಯ ದೀಕ್ಷೆ ಪಡೆದು ಮನೆಯಿಂದ ಹೊರಬಂದ ಸಂದರ್ಭದಲ್ಲಿ ಜೀವನವು ತುಂಬಾ ದುಸ್ತರವಾಗಿರುತ್ತದೆ. ಇಂತಹ ಸಂದರ್ಭದಲ್ಲಿ ಮಂಜಮ್ಮ ಆಯ್ದುಕೊಂಡಿದ್ದು ಸ್ವಾಭಿಮಾನದ ಬದುಕಿಗೆ ಪೂರಕವಾದ ಕಲೆಯನ್ನು. ಆರಂಭಿಕ ಹಂತದ ಈ ಕಲೆಗೆ ಪ್ರಚೋದಕ ಶಕ್ತಿಯಾದವರು ಬಸಪ್ಪನವರು. ಈ ಗುರುವಿನ ಆಶ್ರಯ ಪಡೆದು, ಅವರ ಶಿಷ್ಯಳಾಗಿ ಶಿರಸಾವಹಿಸಿ ದುಡಿದ ಮಂಜಮ್ಮ ನಂತರ ದಿನಗಳಲ್ಲಿ ಈ ಕಲೆಯೊಂದಿಗೆ ತನ್ನ ನಿರಂತದ ಬಂಧವನ್ನು ಕಾಯ್ದುಕೊಳ್ಳುತ್ತಾರೆ. ನಂತರದ ದಿನಗಳಲ್ಲಿ ಹಲವಾರು ಏಳುಬೀಳುಗಳನ್ನು ಅನುಭವಿಸಿದ ಮಂಜಮ್ಮ ಜೋಗತಿ ಮುಂದೆ ಕಾಳವ್ವ ಜೋಗತಿಯನ್ನು ಗುರುವಾಗಿ ಪಡೆಯುತ್ತಾಳೆ. ಈ ಕಾಳವ್ವ ಜೋಗತಿಯು ಮಂಜವ್ವನಿಗೆ ಕೇವಲ ಗುರುವಾಗಿರುವುದಿಲ್ಲ. ಅದರಾಚೆ ತಂದೆ ತಾಯಿ, ಬಂಧು ಬಳಗ ಮತ್ತು ಸರ್ವಸ್ವವಾಗಿಯೂ ಮಂಜವ್ವನಿಗೆ ಅಭಯ ನೀಡುತ್ತಾರೆ. ಕಾಳವ್ವ ಜೋಗತಿಯಿಂದ ಒಂದು ನೆಲೆಯನ್ನು ಕಂಡುಕೊಂಡ ಮಂಜವ್ವ ಜೋಗತಿಯು ತನ್ನ ಬದುಕಿಗಾಗಿ ಸ್ವಾರ್ಥವನ್ನು ಬೆಳೆಸಿಕೊಳ್ಳದೆ, ತನ್ನ ಗುರು ಕಾಳವ್ವ ಜೋಗತಿಯ ಮಾರ್ಗದರ್ಶನದಲ್ಲಿ ತನ್ನಂತೆ ಸಮಾಜ ಮತ್ತು ಕುಟುಂಬದಿಂದ ವಂಚಿತರಾದ ಹಲವಾರು ಅಬಲರಿಗೆ ಆಶ್ರಯ ನೀಡುವ ಮಹಾತಾಯಿಯಾಗಿ ದುಡಿಯುತ್ತಾರೆ.

ಮಂಜಮ್ಮನದು ಯಾವಾಗಲೂ ಒಂಟಿ ಬದುಕಲ್ಲ. ಮಂಜವ್ವ ಎಂಬುದೇ ಕೂಡು ಕುಟುಂಬದ ಮೂರ್ತ ಸ್ವರೂಪ. ಈ ಮಹಾತಾಯಿಯದು ಮಾತೃ ಹೃದಯ. ಕಷ್ಟ ಎಂದು ಬಂದವರಿಗೆ ಅಭಯ ನೀಡಿ ಆಶ್ರಯ ಕಲ್ಪಿಸುವುದೆ ಈ ತಾಯಿಯ ಗುಣವಾಗಿದೆ. ಮಂಜಮ್ಮ ತಾನು ಅನುಭವಿಸಿದ ಎಲ್ಲಾ ಸಂಕಷ್ಟಗಳನ್ನು ಎಂದು ಮರೆತವರಲ್ಲ. ಹೀಗಾಗಿ ಸಮಾಜದಲ್ಲಿ ಮಂಗಳಮುಖಿಯರು ಅನುಭವಿಸುತ್ತಿರುವ ಯಾತನೆಯ ಬಿಸಿಯನ್ನು ಸ್ವತಃ ಅನುಭವಿಸಿದವರಾಗಿದ್ದಾರೆ. ಹೀಗಾಗಿ ಯಾವುದೇ ಮಂಗಳಮುಖಿಯರು ಸಮಾಜದಿಂದ ತಿರಸ್ಕರಿಸಲ್ಪಟ್ಟಿದ್ದರು ಕೂಡ ಅಂತಹವರಿಗೆ ಆಶ್ರಯ ಕಲ್ಪಿಸಿಕೊಂಡು ಬಂದಿದ್ದಾರೆ. ಅಷ್ಟೇ ಅಲ್ಲದೆ ಹಲವಾರು ದೀನ ದಲಿತರಿಗೆ ಆಶ್ರಯಧಾತರಾಗಿ ಮಂಜಮ್ಮ ತಮ್ಮ ಸೇವೆಯನ್ನು ನೀಡುತ್ತಿದ್ದಾರೆ. ಮಂಜಮ್ಮ ಹೊಸಪೇಟೆ ತಾಲ್ಲೂಕಿನ ಮರಿಯಮ್ಮನಹಳ್ಳಿ ಗ್ರಾಮದಲ್ಲಿ ಪುಟ್ಟ ಮನೆಯೊಂದನ್ನು ನಿರ್ಮಿಸಿಕೊಂಡು ದಮನಿತರ ಸೇವೆಯನ್ನು ಮಾಡುವ ಕಾಯಕದಲ್ಲಿ ಸದಾ ತಲ್ಲಿನರಾಗಿದ್ದಾರೆ. ಇದು ಅವರ ಮಾತೃ ಮೌಲ್ಯವನ್ನು ಮತ್ತಷ್ಟು ಶ್ರೀಮಂತಗೊಳಿಸುತ್ತದೆ.
ಮಂಜಮ್ಮನದು ಬಹುಮುಖಿ ವ್ಯಕ್ತಿತ್ವ. ಯಾವುದೆ ಒಂದು ಕಾರ್ಯದಲ್ಲಿ ಮಾತ್ರ ತನ್ನನ್ನು ತೊಡಗಿಸಿಕೊಂಡು ಸುಮ್ಮನಿರುವವರಲ್ಲ. ಕಲಾ ಕ್ಷೇತ್ರಕ್ಕೆ ಬಂದರೆ ಅವರು ಒಬ್ಬ ಜೋಗತಿಯಾಗಿ, ದೇವತೆಯನ್ನು ಆರಾಧಿಸುವುದರೊಂದಿಗೆ, ಜೋಗತಿ ನೃತ್ಯದಲ್ಲಿ ತನ್ನದೆ ಆದ ಛಾಪು ಮೂಡಿಸಿದ ಕೀರ್ತಿ ಇವರದಾಗಿದೆ. ಜೋಗತಿ ನೃತ್ಯದಲ್ಲಿನ ಇವರ ಸಾಧನೆಯು ಇವರನ್ನು ಉತ್ತುಂಗ ಶಿಖರದತ್ತ ಕೊಂಡೊಯ್ದಿದೆ. ಈ ಜೋಗತಿ ಕಲೆಯು ಅವಸಾನದ ಅಂಚಿನಲ್ಲಿರುವಾಗ ಇದಕ್ಕೆ ಮರುಜೀವ ನೀಡಿದವರು ಮಂಜಮ್ಮ ಎಂದರೆ ತಪ್ಪಾಗಲಾರದು. ಈ ಜೋಗತಿ ಕಲೆಯನ್ನು ಪ್ರಚಾರಾತ್ಮಕವಾದ ನೆಲೆಯಲ್ಲಿ ಹಲವಾರ ಸಮಾಜಿಕ ಜಾಗೃತಿ ಕಾರ್ಯಕ್ರಮಗಳಲ್ಲಿ ಇದನ್ನು ಬಳಸಿಕೊಂಡ ಕೀರ್ತಿಗೆ ಇವರು ಭಾಜನರಾಗಿದ್ದಾರೆ. ಆಧುನಿಕ ಸಂಗೀತಾ ಮತ್ತು ನೃತ್ಯಗಳ ಪ್ರಭಾವದಿಂದ ಮೂಲೆಗುಂಪಾಗಿದ್ದ ಮತ್ತು ಯುವಜನತೆ ಮನದ ಮೂಸೆಯಿಂದ ಮರೆಯಾಗುತ್ತಿದ್ದ ಈ ಜೋಗತಿ ನೃತ್ಯ ಮತ್ತು ಕಲೆಯನ್ನು ರಾಷ್ಟ್ರೀಯ ಮಟ್ಟದ ಕಾರ್ಯಕ್ರಮಗಳ ಮೂಲಕ ಪ್ರದರ್ಶನ ನೀಡಿ, ಇದರ ಬಗೆಗೆ ಅರಿವು ಮೂಡಿಸುವಲ್ಲಿ ಮಂಜಮ್ಮ ಜೋಗತಿಯ ಕಾಣ್ಕೆಯು ಅಪಾರವಾಗಿದೆ. ಹಾಗೆಯೇ ಈ ಜೋಗತಿ ನೃತ್ಯವನ್ನು ಯುವ ಪೀಳಿಗೆಗೆ ಪರಿಚಯಿಸುವ ಮತ್ತು ಈ ಕಲೆಯನ್ನು ಮುಂದಿನ ಪೀಳಿಗೆಗೆ ವರ್ಗಾಯಿಸುವ ನೆಲೆಯಲ್ಲಿ ತಮ್ಮ ಹೋರಾಟವನ್ನು ಮಂಜಮ್ಮ ಮುಂದುವರೆಸಿಕೊಂಡು ಬಂದಿದ್ದಾರೆ.

ಮಂಜಮ್ಮನ ಕಲಾಸೇವೆ ಜೋಗತಿ ನೃತ್ಯಕ್ಕೆ ಮಾತ್ರ ಸೀಮಿತವಾದುದಲ್ಲ. ಅದರಾಚೆ ನಾಟಕ ಕ್ಷೇತ್ರಕ್ಕೂ ಲಗ್ಗೆ ಇಟ್ಟಿದೆ. ಆರಂಭಿಕ ಹಂತದಲ್ಲಿ ತಮ್ಮ ಹಸಿವನ್ನು ನೀಗಿಸಲು ದೇವಿಯ ಮಹಾತ್ಮೆಯನ್ನು ಪ್ರಧಾನವಾಗಿಟ್ಟುಕೊಂಡು ಬೀದಿ ನಾಟಕಗಳನ್ನು ಪ್ರದರ್ಶನ ಮಡುವ ಮೂಲಕ ಜೀವನವನ್ನು ಆರಂಭಿಸಿದ ಮಂಜಮ್ಮ ಜೋಗತಿಯು ರೇಣುಕೆಯ ಪಾತ್ರಕ್ಕೆ ಜೀವ ತುಂಬಿದರು. ಹೀಗೆ ಬೀದಿ ನಾಟಕಗಳ ಮೂಲಕ ಪ್ರದರ್ಶನವನ್ನು ಆರಂಭಿಸಿದ ಮಂಜಮ್ಮ ಸಾಮಾಜಿಕ ಅರಿವು ಮೂಡಿಸುವ ನೆಲೆಯಲ್ಲಿ ಏಡ್ಸ್, ಮಲೇರಿಯಾ, ಪೋಲಿಯೊ, ಸ್ವಚ್ಚತೆಯ ಅರಿವು ಮೂಡಿಸುವ ಹಲವಾರು ನಾಟಕಗಳನ್ನು ಪ್ರದರ್ಶನ ಮಾಡುತ್ತ ಬಂದಿದ್ದಾರೆ. ಹಾಗೆಯೇ ಮುಂದುವರೆದು ಹಲವಾರು ಪೌರಾಣಿಕ ನಾಟಕಗಳಲ್ಲಿ ಪ್ರಮುಖ ಪಾತ್ರಧಾರಿಯಾಗಿ ತನ್ನ ಸೇವೆಯನ್ನು ಮುಂದುವರೆಸಿಕೊಂಡು ಬಂದಿದ್ದಾರೆ. ದೃಢ ದೇಹಕಾಯರಾದ ಮಂಜಮ್ಮ ಭೀಮ, ದುರ್ಯೋಧನ, ಹಿರಣ್ಯಕಶ್ಯಪು ಪಾತ್ರಗಳ ಮೂಲಕ ಪುರುಷ ಪಾತ್ರಧಾರಿಗಳು ನಾಚುವಂತೆ ಪ್ರದರ್ಶನ ನೀಡುತ್ತ ಬಂದಿದ್ದಾರೆ. ಹೀಗೆ ಮುಂದುವರೆದ ಇವರ ಸಾಧನೆಯು ಇಂದಿಗೂ ತನ್ನ ಜೀವಂತಿಕೆಯನ್ನು ಕಾಯ್ದುಕೊಂಡಿದ್ದು, ಹಲವಾರು ನಾಟಕಗಳ ಪ್ರದರ್ಶನದ ಜೊತೆಗೆ ಯುವ ಸಮುದಾಯಕ್ಕೆ ನಾಟಕ ತರಬೇತಿ ನೀಡುವ ಜವಬ್ದಾರಿಯನ್ನು ಹೊತ್ತಿದ್ದಾರೆ. ಹೀಗಾಗಿ ಜೋಗತಿ ನೃತ್ಯ ಮತ್ತು ನಾಟಕ ಕ್ಷೇತ್ರಗಳಲ್ಲಿ ಮಂಜಮ್ಮನ ಸಾಧನೆಯು ಅಪಾರವಾದುದಾಗಿದೆ.

ಮಂಜಮ್ಮ ಗಂಡಾಗಿ ಹುಟ್ಟಿ ಹೆಣ್ಣಾಗಿ ಪರಿವರ್ತನೆಯಾದವರು. ಇದು ಅವರ ದೇಹದಲ್ಲಾದ ಜೈವಿಕ ಬದಲಾವಣೆ. ಆದರೆ ಈ ಜೈವಿಕ ಕ್ರಿಯೆಯಿಂದ ಉಂಟಾದ ಬದಲಾವಣೆಯ ಪರಿಣಾಮವಾಗಿ ಸಮಾಜದಲ್ಲಿ ಹಲವಾರು ಸಂಕಷ್ಟಗಳನ್ನು ಅನುಭವಿಸಿದರು. ಈ ಸಂಕಷ್ಟಗಳು ಅತಿಯಾದಾಗ ಸಾವಿಗೆ ಶರಣಾಗಲು ಮುಂದಾದರು. ಆದರೆ ಸಾವನ್ನು ಜಯಿಸಿದ ಮಂಜಮ್ಮ ಇಂದು ಸಾಧನೆಯ ಶಿಖರದಲ್ಲಿದ್ದಾರೆ. ಅಂದು ತಾವು ಹೆಣ್ಣಾಗಿ ಮನೆಯನ್ನು ತೊರೆದಾಗ ಒಂದು ಕಾಟನ್ ಸೀರೆ ಮಾತ್ರ ಇವರ ಬಳಿ ಇದ್ದಿದ್ದು. ಆದರೆ ಈ ಬಡತನಕ್ಕೆ ಅಂಜದ ಮಂಜಮ್ಮ ನಿಷ್ಠೆ ಮತ್ತು ಪ್ರಾಮಾಣಿಕತೆಯ ಮೂಲಕ ಇಂದು ಸಮಾಜದಲ್ಲಿ ಉತ್ತಮವಾದ ಸ್ಥಾನಮಾನವನ್ನು ಪಡೆದುಕೊಂಡಿದ್ದಾರೆ. ಅಂದು ಕೇವಲ ಒಂದು ಸೀರೆಯನ್ನುಟ್ಟು ಹೊರಬಂದ ಈ ಮಹಾತಾಯಿಯು ಇಚಿದು ತನ್ನಲ್ಲಿ ಹಲವಾರು ಸೀರೆಗಳು ಇರುವುದನ್ನು ನೆನೆದು ಸಂತೋಷ ಪಡುತ್ತಾರೆ. ಮಂಜಮ್ಮ ಆಸ್ತಿಪಾಸ್ತಿಯನ್ನು ಸಂಪಾದಿಸಿದವರಲ್ಲ. ದೀನ ದಲಿತರ ಹಾರೈಕೆ ಮತ್ತು ಅವರ ಪ್ರೀತಿಯನ್ನು ಸಂಪಾದಿಸುವುದೆ ಆಸ್ತಿಯೆಂದು ಭಾವಿಸಿದವರು. ಸೀರೆಯೊಂದಿಗಿನ ಇವರ ನಂಟು ಹೆಣ್ತನದ ಪ್ರತಿರೂಪವಾಗಿದೆ. ಇದರೊಂದಿಗಿನ ಅವರ ನಂಟು ಭಾವನಾತ್ಮಕ ಸ್ವರೂಪದಿಂದ ಕೂಡಿದೆ.

ಮಂಜಮ್ಮನವರ ಕಲಾಕ್ಷೇತ್ರದ ಸಾಧನೆಗಾಗಿ ಕರ್ನಾಟಕ ಸರ್ಕಾರವು ನೀಡುವ ಉನ್ನತ ಪುರಸ್ಕಾರವಾಗಿರುವ ‘ಕನ್ನಡ ರಾಜ್ಯೋತ್ಸವ’ ಪ್ರಶಸ್ತಿಯು ಇವರ ಮುಡಿಗೇರಿದೆ. ಹಾಗೆಯೇ ಇವರ ಕಲಾಸೇವೆ ಹಾಗೂ ಸಾಮಾಜಿಕ ಕಳಕಳಿಯನ್ನು ಗಮನಿಸಿದಂತಹ ಹಲವಾರು ಸಂಘ ಸಂಸ್ಥೆಗಳು ಹಲವಾರು ಪುರಸ್ಕಾರ ಹಾಗೂ ಸನ್ಮಾನದ ಮೂಲಕವಾಗಿ ಇವರನ್ನು ಗೌರವಿಸಿವೆ. ಸಾಧನೆಗೆ ಹೆಣ್ಣು ಗಂಡು, ಮೇಲು ಕೀಳು, ಶ್ರೇಷ್ಠ ಕನಿಷ್ಟವೆಂಬ ಯಾವುದೇ ಅಡ್ಡಿ ಆತಂಕಗಳಿಲ್ಲ. ಸಾಧಿಸುವ ಛಲವೊಂದಿದ್ದರೆ ಎಂಥ ಪರ್ವತವನ್ನು ಶ್ರಮದ ಮೂಲಕ ಹೇರಿ ಸಾಧಿಸಬಹುದು ಎಂಬುದನ್ನು ಮಂಜಮ್ಮ ಸಾಧಿಸಿ ತೋರಿಸಿದ್ದಾರೆ. ಮಂಜಮ್ಮನದು ಸದಾ ತುಡಿಯುವ ಮಾತೃ ಹೃದಯ. ಈ ಮಹಾತಾಯಿಯ ಮಾತೃ ಹೃದಯವು ಕೇವಲ ದಮನಿತ ಸಮುದಾಯದ ಮಾನವ ಲೋಕಕ್ಕೆ ಮಾತ್ರ ಮಿಡಿಯುತ್ತ ಬಂದಿಲ್ಲ. ಅದರಾಚೆಗಿನ ಪ್ರಾಣಿ ಪಕ್ಷಿ ಸಂಕುಲಕ್ಕೂ ತನ್ನ ಅಂತಃಕರಣದ ತುಡಿತವನ್ನು ವ್ಯಕ್ತಪಡಿಸಿಕೊಂಡು ಬಂದಿದೆ. ಇದಕ್ಕೆ ಸಾಕ್ಷಿಯಾಗಿ ಈ ತಾಯಿಯು ತನ್ನ ಕುಟೀರದೊಳಗೆ ವಿವಿಧ ಪ್ರಾಣಿ ಸಂಕುಲಕ್ಕೆ ಆಶ್ರಯ ನೀಡಿ, ತನ್ನ ಮಕ್ಕಳಂತೆ ಪ್ರೀತಿಯುಣಿಸುತ್ತಾ ಬಂದು, ಅವುಗಳ ನೋವಿಗೆ ಮಿಡಿದಿದ್ದಾರೆ. ಮಂಜಮ್ಮ ಎಂಬ ಈ ಮಹಾತಾಯಿಯು ತನ್ನಂತೆ ಹಲವಾರು ಮಂಗಳಮುಖಿಯರಿಗೆ ಆಶ್ರಯ ನೀಡುವುದರ ಜೊತೆಗೆ, ಆಶ್ರಯ ಕಳೆದುಕೊಂಡ ವೃದ್ಧರು ಹಾಗೂ ತಂದೆ ತಾಯಿಗಳ ಪ್ರೀತಿಯಿಂದ ವಂಚಿತರಾದ ಅನಾಥ ಮಕ್ಕಳಿಗೆ ಆಶ್ರಯಧಾತೆಯಾಗಿ ತನ್ನ ಮಾತೃ ಶ್ರೀಮಂತಿಕೆಯನ್ನು ಹಾಗೂ ತಾಯ್ತನವನ್ನು ಹೆಚ್ಚಿಸಿಕೊಂಡಿದ್ದಾರೆ. ಇದು ಮಂಜಮ್ಮ ಜೋಗತಿಯ ಬದುಕಿನ ಕಿರು ಪರಿಚಯ ಮಾತ್ರವಾಗಿದೆ. ಇವರ ಸಾಧನೆಯು ನಿಸ್ವಾರ್ಥದಿಂದ ಕೂಡಿದ್ದು, ಮಾತು ಕೃತಿಯಾಗಿ, ಕಾರ್ಯವಾಗಿ ಹೊರಹೊಮ್ಮಿದೆ. ಆದ ಕಾರಣ ಇವರನ್ನು, ಇವರ ಕಾರ್ಯವನ್ನು ಎಷ್ಟು ವರ್ಣಿಸಿದರೂ ಅತಿಶಯೋಕ್ತಿಯಾಗಲಾರದು. ಮಂಜಮ್ಮ ಜೋಗತಿಯೆಂಬ ಈ ಮಹಾತಾಯಿಯು ಕಲಾಕ್ಷೇತ್ರಕ್ಕೆ ಇನ್ನಷ್ಟು ಸೇವೆಯನ್ನು ನೀಡಲಿ, ಇವರ ಸಾಮಾಜಿಕ ಕಳಕಳಿ ಸದಾ ಹೀಗೆ ಮುಂದುವರೆಯುವಂತಹ ಆರೋಗ್ಯವನ್ನು ದೇವರು ಕರಣಿಸಲಿ ಎಂಬುದೆ ನಮ್ಮ ಹಾರೈಕೆ.

ಸುದ್ದಿಗಾಗಿ ಸುದ್ದಿದಿನ.ಕಾಂ ವಾಟ್ಸಾಪ್ ನಂಬರ್ | 9986715401

ಡಾ.ಕೆ.ಎ ಓಬಳೇಶ್ ಅವರು ಕುವೆಂಪು ವಿಶ್ವವಿದ್ಯಾಲಯದಿಂದ ಕನ್ನಡ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಐದು ಚಿನ್ನದ ಪದಕ ಹಾಗೂ ನಾಲ್ಕು ನಗದು ಬಹುಮಾನಗಳೊಂದಿಗೆ ಪಡೆದುಕೊಂಡು, ಚಿನ್ನದ ಹುಡುಗ ಎಂಬ ಕೀರ್ತಿಯನ್ನು ಕುವೆಂಪು ವಿಶ್ವವಿದ್ಯಾಲಯದಿಂದ ಪಡೆದುಕೊಂಡಿರುತ್ತಾರೆ. ಮೂರು ವರ್ಷಗಳ ಕಾಲ ದಾವಣಗೆರೆಯ ವಿವಿಧ ಪದವಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆಯನ್ನು ಸಲ್ಲಿಸಿರುತ್ತಾರೆ. ನಂತರದಲ್ಲಿ ಕನ್ನಡ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿಯನ್ನು ಪಡೆದ ಇವರು, ಇದೇ ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿರುತ್ತಾರೆ. ಸಂಶೋಧನೆ ಹಾಗೂ ಬರವಣಿಗೆಯಲ್ಲಿ ಆಸಕ್ತಿಯುಳ್ಳ ಇವರು ಸುಮಾರು ಮೂರು ವರ್ಷಗಳಿಂದ ವಿವಿಧ ಪತ್ರಕೆಗಳಲ್ಲಿ ತಮ್ಮ ಲೇಖನಗಳನ್ನು ಪ್ರಕಟಿಸುತ್ತ ಬಂದಿರುತ್ತಾರೆ. ಭೀಮವಾದ ಮಾಸ ಪತ್ರಿಕೆಯಲ್ಲಿ ದಲಿತ ಹೋರಾಟ ಕಥನ ಎಂಬ ಅಂಕಣವನ್ನು ಸತತವಾಗಿ ಮೂರು ವರ್ಷಗಳಿಂದ ಮುಂದುವರೆಸಿಕೊಂಡು ಬಂದಿರುತ್ತಾರೆ. ಸಾಹಿತ್ಯ ಕ್ಷೇತ್ರದಲ್ಲಿ ಆಸಕ್ತಿಯುಳ್ಳ ಇವರು 'ಅಸ್ಮಿತೆ ಮತ್ತು ಆತ್ಮವಿಮರ್ಶೆ' ಎಂಬ ಕೃತಿಯನ್ನು ಹಾಗೂ 'ವಿವೇಕಯಾನ' ಎಂಬ ನಾಟಕವನ್ನು ರಚಿಸಿರುತ್ತಾರೆ. ವಿವೇಕಯಾನ ನಾಟಕ ಕೃತಿಯು ನಾಟಕ ಅಕಾಡೆಮಿಯ ಪ್ರಶಸ್ತಿಗೆ ಭಾಜನವಾಗಿರುತ್ತದೆ. ಕಾವ್ಯ ರಚನೆಯಲ್ಲಿಯು ಆಸಕ್ತಿಯನ್ನು ಹೊಂದಿರುವ ಇವರಿಗೆ ೨೦೧೪ರಲ್ಲಿ 'ಸಾಹಿತ್ಯ ಸಿರಿ' ರಾಜ್ಯ ಪ್ರಶಸ್ತಿಯು ಲಭಿಸಿರುತ್ತದೆ. ಇಮೇಲ್: eakantagiri@gmail.com. ಮೊ: 9538345639/ 9591420216 )

ಅಂಕಣ

ಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ

Published

on

~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ

ಅಂಬೇಡ್ಕರ್ ಅವರು ಭಾರತದ ಚರಿತ್ರೆಗಳ ರಚನೆಗೆ ಪ್ರಾಯೋಗಿಕ ಉಪಕರಣಗಳನ್ನು (ಎಂಪರಿಕಲ್ ಟೂಲ್ಸ್) ಬಳಸಿರುತ್ತಾರೆ. ಆದರೆ ಈ ಎಲ್ಲ ಉಪಕರಣಗಳು ಕೇವಲ ಚರಿತ್ರೆಯ ರಚನೆಗೆ ಮಾತ್ರ ಕಾರಣವಾಗದೆ, ಸಮೂಹಗಳ ಸಾಮಾಜಿಕ-ರಾಜಕೀಯ ಸಮಾನತೆ, ಸ್ವಾಯತ್ತತೆಯನ್ನೂ ಕಲ್ಪಿಸುವುದಕ್ಕೂ ಬದ್ಧವಾಗಿರುತ್ತವೆ. ಆರ್ಥಿಕತೆಯ ನಿಲುವುಗಳ ಮೂಲಕ ಭಾರತದ ಚರಿತ್ರೆಯನ್ನು ವ್ಯಾಖ್ಯಾನಿಸುವ ಕ್ರಮಗಳನ್ನು ಅಂಬೇಡ್ಕರ್ ಅವರು ಅತ್ಯಂತ ಕಟುವಾಗಿಯೇ ವಿಮರ್ಶಿಸುತ್ತಾರೆ.

ಸಮಾಜವಾದಿಗಳು ಮತ್ತು ಮಾರ್ಕ್ಸ್ವಾದಿಗಳು ಆರ್ಥಿಕತೆಯ ನೆಲೆಯಿಂದ ಭಾರತದಲ್ಲಿ ಚರಿತ್ರೆಗಳನ್ನು ನಿರ್ವಚಿಸುವ ಪ್ರಯತ್ನವನ್ನು ಮಾಡಿರುತ್ತಾರೆ ಎನ್ನುವುದನ್ನು ಇಲ್ಲಿ ಗಮನಿಸಬಹುದು. ಭಾರತದ ಚರಿತ್ರೆಗಳಲ್ಲಿ ದಾಖಲಾಗಿರುವ ಯಾವುದೇ ರಾಜಕೀಯ ಕ್ರಾಂತಿ/ಹೋರಾಟಗಳು ಯಾವಾಗಲೂ ಸಾಮಾಜಿಕ-ಧಾರ್ಮಿಕ ಕ್ರಾಂತಿಗಳಿಂದ ಮಾತ್ರ ಕೂಡಿರುವುದನ್ನೂ ಅಂಬೇಡ್ಕರ್ ಅವರು ಇಲ್ಲಿ ಗುರುತಿಸುತ್ತಾರೆ. ಭಾರತದಲ್ಲಿ ಅಷ್ಟೆಯಲ್ಲ, ಅಮೆರಿಕ, ಯುರೋಪ್, ಅರೇಬಿಯಾ ದೇಶಗಳಲ್ಲಿಯೂ ಇದೇ ಬಗೆಯ ಚರಿತ್ರೆಯ ನಿರ್ಮಾಣವು ನಡೆದಿರುವುದನ್ನು ನೋಡುತ್ತೇವೆ. ಮತ್ತು ಶಿವಾಜಿ, ಚಂದ್ರಗುಪ್ತ ಮೌರ್ಯ, ಸಿಖ್ ರಾಜ್ಯಗಳ ರಾಜರುಗಳಿಂದ ಕೈಗೊಳ್ಳಲಾದ ರಾಜಕೀಯ ಕ್ರಾಂತಿಗಳು, ಬುದ್ಧ, ಗುರು ನಾನಕ್ ಹಾಗೂ ಇತರ ಸಾಧು ಸಂತರ ಸಾಮಾಜಿಕ, ಧಾರ್ಮಿಕ ಚಳವಳಿಗಳ ಮೂಲಕ ಕಂಡಿರುತ್ತೇವೆ.

ಆದರೆ ಪರಿಣಾಮಗಳಲ್ಲಿ ಅಗಾಧವಾದ ವ್ಯತ್ಯಾಸಗಳನ್ನೂ ನಾವು ಇವತ್ತು ಕಾಣುತ್ತೇವೆ ಹಾಗೂ ಭಾರತದ ಚರಿತ್ರೆಗಳನ್ನು ಕುರಿತು ಬ್ರಿಟಿಶರು ತಾಳಿರುವ ಧೋರಣೆಗಳು ಅತ್ಯಂತ ದೋಷಪೂರಿತ ನೆಲೆಗಳಿಂದ ಕೂಡಿದ್ದವು ಎಂಬುದನ್ನು ಅಂಬೇಡ್ಕರ್ ಅವರು ಅತ್ಯಂತ ಬಲವಾಗಿ ನಂಬಿದ್ದರು. ಮತ್ತು ಅವುಗಳನ್ನು ಬಿಡಿಸಿ ತೋರಿಸುವುದಕ್ಕೆ ಬೇಕಾದ ಪರಿಕರಗಳನ್ನೂ ತಮ್ಮ ಅಧ್ಯಯನಗಳ ಮೂಲಕ ರೂಪಿಸಿರುತ್ತಾರೆ.

ಭಿನ್ನ ಸಂವೇದನೆಯ ಮೂಲಕ ಭಾರತವನ್ನು ಗ್ರಹಿಸಿದ ಅಂಬೇಡ್ಕರ್ ಚಿಂತನೆಗಳು ಹಾಗೂ ಸಾಮಾಜಿಕವಾಗಿ ಅತ್ಯಂತ ಸೂಕ್ಷ್ಮ ನಿಲುವುಗಳಾಗಿ ಯಾವತ್ತಿಗೂ ಚರ್ಚೆಗೆ ಒಳಪಡುತ್ತಿರುವ ‘ಅಲ್ಪಸಂಖ್ಯಾತರು’ ‘ಲಿಂಗ’ ಹಾಗೂ ‘ಜಾತಿ’ಗಳ ನಡುವೆ ಒಂದು ಬಗೆಯ ತಾರ್ಕಿಕ ನಂಟನ್ನು ಏರ್ಪಡಿಸಬಹುದು. ರಾಷ್ಟ್ರೀಯತೆಯ ಜೊತೆಗೆ ಅಲ್ಪಸಂಖ್ಯಾತರು, ಲಿಂಗ ಹಾಗೂ ಜಾತಿಯ ವಿನ್ಯಾಸಗಳನ್ನು ಇಟ್ಟು ನೋಡಿದರೆ, ರಾಷ್ಟ್ರೀಯತೆ ಎನ್ನುವುದು ಕೇವಲ ಏಕಾಕೃತಿಯ ನೆಲೆಯನ್ನಾಗಿ ಬಿಂಬಿಸಲಾಗುತ್ತದೆ. ಇಂತಹ ಏಕಾಕೃತಿ ನಿಲುವುಗಳನ್ನು ಭಗ್ನ ಮಾಡುವ ಅತ್ಯಂತ ಪ್ರಖರವಾದ ಚಿಂತನೆಗಳನ್ನು, ಅಲ್ಪಸಂಖ್ಯಾತ, ಲಿಂಗ, ಜಾತಿ ಮತ್ತು ಧರ್ಮಗಳ ವಿನ್ಯಾಸಗಳನ್ನು ನೆಲೆಯಾಗಿಸಿಕೊಂಡು ಅಂಬೇಡ್ಕರ್ ಅವರು ಚಿಂತಿಸಿರುತ್ತಾರೆ. ಹಾಗೂ ಈ ಚಿಂತನೆಗಳ ಮುಖೇನವೇ ಸಾಂಸ್ಕೃತಿಕ-ಚಾರಿತ್ರಿಕ ಬಹುಳತೆಯನ್ನು ಕಂಡರಿಸುವ ದಾರಿಗಳನ್ನೂ ಅವರ ಚಿಂತನೆಗಳಲ್ಲಿ ಕಾಣಬಹುದಾಗಿದೆ.

ಅಂದರೆ ಅಂಬೇಡ್ಕರ್ ಅವರ ಸೈದ್ಧಾಂತಿಕ ತಿಳಿವಿನ ಚೌಕಟ್ಟನ್ನು ಅರಿಯಬೇಕೆಂದರೆ, ಅವರು ಫ್ರೆಂಚ್ ಕ್ರಾಂತಿಯಿಂದ ಎರವಲು ಪಡೆದಿರುವ ಸಾಮಾಜಿಕ-ರಾಜಕೀಯ ‘ತ್ರಿಕೂಟ’ (ಟ್ರಿನಿಟಿ) ಪರಿಕಲ್ಪನೆಗಳನ್ನು ಇಲ್ಲಿ ನಾವು ಪರಿಗಣನೆಗೆ ತೆಗೆದುಕೊಳ್ಳುವ ಅಗತ್ಯವಿದೆ. ‘ಸ್ವಾತಂತ್ರ್ಯ, ಸಮಾನತೆ ಹಾಗೂ ಸಹೋದರತ್ವ’ ಎಂಬುದಾಗಿ ಈ ತ್ರಿಕೂಟ ಪರಿಕಲ್ಪನೆಗಳನ್ನು ಗುರುತಿಸಬಹುದು.

ಫ್ರೆಂಚ್ ಕ್ರಾಂತಿಯ ನಿಲುವುಗಳನ್ನು ಕುರುಡಾಗಿ ಅನುಕರಿಸುವುದಾಗಲೀ ಇಲ್ಲವೇ ಆ ಕ್ರಾಂತಿಯ ನಿಲುವುಗಳನ್ನು ಯಥಾವತ್ತಾಗಿ ಪಾಲಿಸುವುದಾಗಲೀ ಅಂಬೇಡ್ಕರ್ ಅವರ ಉದ್ದೇಶವಾಗಿರಲಿಲ್ಲ. ಆದರೆ ಈ ಕ್ರಾಂತಿಯಿಂದ ಪ್ರೇರಣೆಯನ್ನು ಮಾತ್ರ ಪಡೆದುಕೊಂಡಿರುತ್ತಾರೆ. ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳನ್ನು ಮರುಪರೀಕ್ಷಿಸುವುದು ಅಷ್ಟೆಯಲ್ಲದೆ ಅವುಗಳನ್ನು ಮರು ವಿನ್ಯಾಸಗೊಳಿಸಿರುವುದನ್ನೂ ಇಲ್ಲಿ ನೋಡಬಹುದು. ಅಂದರೆ, ಫ್ರೆಂಚ್ ಕ್ರಾಂತಿಯ ಸನ್ನಿವೇಶಕ್ಕಿಂತ ಮಿಗಿಲಾದ ಸಾಮಾಜಿಕ-ಸಾಂಸ್ಕೃತಿಕ ಆಯಾಮ ಮತ್ತು ಅರ್ಥಗಳನ್ನು ಅಂಬೇಡ್ಕರ್ ಅವರು ಈ ಪರಿಕಲ್ಪನೆಗಳಿಗೆ ಕೊಟ್ಟಿರುತ್ತಾರೆ.

ಜಾತಿಕೇಂದ್ರಿತವಾದ ಭಾರತ ದೇಶವು ವರ್ಗಕೇಂದ್ರಿತವಾದ ಫ್ರೆಂಚ್ ದೇಶಕ್ಕಿಂತ ಸಹಜವಾಗಿಯೇ ಭಿನ್ನವಾಗಿದೆ. ಈ ಸಾಮಾಜಿಕ ವಿನ್ಯಾಸಕ್ಕೆ ಅನುಗುಣವಾಗಿಯೇ ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳ ತಾತ್ವಿಕತೆಯನ್ನು ರೂಪಿಸಿರುತ್ತಾರೆ. ಸಮೂಹಗಳ ಒಳ್ಳೆಯ ಬದುಕಿಗೆ ಈ ತ್ರಿಕೂಟಗಳು ಅತ್ಯಂತ ಅವಶ್ಯವೆಂಬುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು (ರೊಡ್ರಿಗಸ್, 2002). ಚರಿತ್ರೆಯ ನಿರ್ಮಾಣದಲ್ಲಿ ಹಾಗೂ ಸಾಮಾಜಿಕ ಬದುಕುಗಳನ್ನು ಕಟ್ಟಿಕೊಳ್ಳುವಲ್ಲಿ ಈ ಸಮಾನತೆ, ಸ್ವಾತಂತ್ರ್ಯ ಹಾಗೂ ಸಹೋದರತ್ವವು ಎಷ್ಟೊಂದು ಮಹತ್ವದ ಪಾತ್ರವನ್ನು ವಹಿಸಬಲ್ಲವು ಎನ್ನುವುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು.

ಅಂಬೇಡ್ಕರ್ ಅವರು ಗಾಂಧಿ ಮತ್ತು ಕಾಂಗ್ರೇಸ್ ಸಂಘಟನೆಯನ್ನು ಕುರಿತು ‘ವ್ಹಾಟ್ ಗಾಂಧಿ ಆ್ಯಂಡ್ ಕಾಂಗ್ರೇಸ್ ಹ್ಯಾವ್ ಡನ್ ಟು ದ ಅನ್ಟಚೇಬಲ್ಸ್’ ಎಂಬ ಬರಹದಲ್ಲಿ ಸಮೂಹಗಳ ಏಳ್ಗೆಯ ನೆಲೆಯಿಂದ ವಿಶ್ಲೇಷಣೆ ಮಾಡಿರುತ್ತಾರೆ. ಅಂದರೆ ಸ್ವಾತಂತ್ರ್ಯ, ಸಮಾನತೆ ಮತ್ತು ಸಹೋದರತ್ವದಂತಹ ತ್ರಿಕೂಟ ಕಲ್ಪನೆಗಳು ಸಮೂಹಗಳ ಅಸ್ತಿತ್ವ, ಅಸ್ಮಿತೆ ಹಾಗೂ ಪ್ರಜ್ಞೆಯನ್ನು ಕುರಿತು ಮಾತ್ನಾಡಿದರೆ, ಕಾಂಗ್ರೆಸ್ ಸಂಘಟನೆಯು ರಾಷ್ಟ್ರೀಯತೆಯ ಕಲ್ಪನೆಯ ಬಗೆಗೆ ಮಾತ್ರ ಹೆಚ್ಚು ಕಾಳಜಿಯನ್ನು ವಹಿಸಿರುವುದನ್ನು ಇಲ್ಲಿ ನೋಡುತ್ತೇವೆ. ಆದರೆ ಗಾಂಧೀಜಿಯವರು ಸಾಂಪ್ರದಾಯಿಕ ರಾಷ್ಟ್ರೀಯತೆಯನ್ನು ಕುರಿತು ಯೋಚಿಸಿದರೆ, ನೆಹರೂ ಅವರು ಸಮಾಜವಾದದ ನೆಲೆಯಿಂದ ರಾಷ್ಟ್ರೀಯತೆಯ ಪ್ರಜ್ಞೆಯನ್ನು ರೂಪಿಸುವ ತುಡಿತವನ್ನು ಹೊಂದಿದ್ದರು. ಒಟ್ಟಾರೆ ರಾಷ್ಟ್ರೀಯತೆ ಬಗೆಗಿನ ನಿಲುವುಗಳಲ್ಲಿ ಬಹುಸಮಾಜಗಳು ಎದುರಿಸುವ ಸಾಮಾಜಿಕ-ರಾಜಕೀಯ ಬಿಕ್ಕಟ್ಟುಗಳು ಮಹತ್ವವನ್ನು ಪಡೆಯದೆ, ಕೇವಲ ರಾಷ್ಟ್ರ ಮತ್ತು ರಾಷ್ಟ್ರೀಯತೆಯ ಕುರಿತಾದ ಮೌಲ್ಯಗಳು ಮಾತ್ರ ಮುಂಚೂಣಿಗೆ ಬರುತ್ತವೆ.

ಹಾಗಾಗಿ ಭಾರತದ ಚರಿತ್ರೆಗಳಲ್ಲಿ ರಾಷ್ಟ್ರ, ರಾಷ್ಟ್ರ ಪ್ರಭುತ್ವ ಹಾಗೂ ರಾಷ್ಟ್ರೀಯತೆಗಳ ಮಹತ್ವ ಮತ್ತು ಹಿರಿಮೆಯ ಬಗೆಗಿರುವ ಕಾಳಜಿಗಳು, ಸಾಮಾಜಿಕ ಚರಿತ್ರೆಯನ್ನು ಬಿಂಬಿಸುವಲ್ಲಿ ಗೈರು ಆಗಿರುತ್ತವೆ. ಅಂಬೇಡ್ಕರ್ ಅವರು ಇಂತಹ ಚಾರಿತ್ರಿಕ ಲೋಪಗಳನ್ನು ಗುರುತಿಸುವ ಜೊತೆಗೆ, ರಾಜಕೀಯ ಪ್ರೇರಿತವಾದ ಚರಿತ್ರೆಗಳಿಗಿಂತ, ಸಾಮಾಜಿಕ ನೆಲೆಗಳಿಂದ ಚರಿತ್ರೆಯನ್ನು ಬರೆಯುವುದು ಎಷ್ಟೊಂದು ಮಹತ್ವದ ಕೆಲಸವೆಂಬುದನ್ನೂ ಮನಗಾಣಿಸಿದ್ದಾರೆ. ಸಾಮಾಜಿಕ ಚರಿತ್ರೆಗಳನ್ನು ಕಡೆಗಣಿಸಿ ರಾಷ್ಟ್ರೀಯತೆಯ ಕಲ್ಪನೆಯನ್ನು ಊಹಿಸುವುದು ಕೂಡ ದುಸ್ತರದ ಸಂಗತಿಯೆಂಬುದನ್ನು ಅಂಬೇಡ್ಕರ್ ಅವರು ಚಿಂತನೆಗಳು ನಮಗೆ ಮನವರಿಕೆ ಮಾಡುತ್ತವೆ. ಈ ಕಾರಣಗಳಿಂದ ‘ಚರಿತ್ರೆಯನ್ನು ಮರೆತವರು ಚರಿತ್ರೆಯನ್ನು ಸೃಷ್ಟಿಸಲಾರರು’ ಎಂಬ ನಿಲುವನ್ನು ಅತ್ಯಂತ ಬಲವಾಗಿಯೇ ಅಂಬೇಡ್ಕರ್ ಅವರು ನಂಬಿರುತ್ತಾರೆ ಎಂಬುದು ಅತ್ಯಂತ ಗಮನಾರ್ಹ ಸಂಗತಿ.

ಚರಿತ್ರೆ ಎಂಬುದು ಒಂದು ಕನಸಾಗಲೀ ಇಲ್ಲವೇ ಭ್ರಮೆಯಾಗಲೀ ಅಲ್ಲ ಹಾಗೂ ಚರಿತ್ರೆಯೆಂಬುದು ಒಂದು ನಿರ್ವಾತವೂ ಅಲ್ಲ ಮತ್ತು ತೆರಪುಗಳನ್ನು ತುಂಬುವ ಪ್ರಕ್ರಿಯೆಯೂ ಅಲ್ಲ. ಬದಲಾಗಿ ಅದೊಂದು ಸಾಮಾಜಿಕ-ಸಾಂಸ್ಕೃತಿಕ-ರಾಜಕೀಯ ಗ್ರಹಿಕೆ ಮತ್ತು ಜ್ಞಾನಶಿಸ್ತು ಆಗಿರುತ್ತದೆ. ಜ್ಞಾನಶಿಸ್ತುಗಳು ಮತ್ತು ಗ್ರಹಿಕೆಗಳು ಸಮೂಹ ಕೇಂದ್ರಿತವಾಗಿರುಬೇಕೆ ಹೊರತು ಕೇವಲ ರಾಜಕೀಯ-ಸಾಮಾಜಿಕ ಪ್ರಾಬಲ್ಯವನ್ನು ಹೊಂದಿರುವ ವ್ಯಕ್ತಿಗಳ ಇಲ್ಲವೇ ಆಳುವ ವರ್ಗಗಳನ್ನು ಮಾತ್ರ ಪ್ರತಿನಿಧಿಸುವ ವಿನ್ಯಾಸಗಳಾಗಿ ಇವುಗಳು ಇರಲಾರವು. ಚರಿತ್ರೆಯೂ ಒಂದು ಜ್ಞಾನಶಿಸ್ತೇ ಆಗಿರುವುದರಿಂದ, ಇದು ಬಹುಸಮೂಹಗಳನ್ನು ಪ್ರತಿನಿಧಿಸುವ ವಿನ್ಯಾಸವಾಗಬೇಕು ಎಂಬ ಅಚಲವಾದ ನಿಲುವನ್ನು ಅಂಬೇಡ್ಕರ್ ಅವರು ತಾಳಿದ್ದರು. ಯಾವುದೇ ಗ್ರಹಿಕೆಯು ಸಮೂಹ ಕೇಂದ್ರಿತವಾಗಿರುತ್ತದೆ ಎನ್ನುವ ನಿಲುವಿನಲ್ಲಿ ಅಂಬೇಡ್ಕರ್ ಅವರಿಗೆ ತಾತ್ವಿಕ ಹಾಗೂ ವೈಯಕ್ತಿಕವಾಗಿ ಅಪಾರವಾದ ನಂಬಿಕೆಯಿತ್ತು.

ಹಾಗಾಗಿ ಅಂಬೇಡ್ಕರ್ ಅವರು ನಿನ್ನೆಗಳನ್ನು ಕುರಿತಾದ ತಾತ್ವಿಕ ಪ್ರಶ್ನೆಗಳನ್ನು ಮೈಮೇಲೆ ಎಳೆದುಕೊಂಡು, ಅವುಗಳಿಗೆ ಉತ್ತರಗಳನ್ನು ಹುಡುಕುವ ಪ್ರಯತ್ನವನ್ನು ಮಾಡಿರುತ್ತಾರೆ. ನಿನ್ನೆಗಳು ತಮ್ಮ ಹಕ್ಕುಗಳೆಂದು ಯಾರು ವಾದಿಸುವವರೋ ಅವರೆಲ್ಲರಿಗೂ, ವರ್ತಮಾನದಲ್ಲಿ ಉಂಟಾಗಿರುವ ಬಿಕ್ಕಟ್ಟುಗಳಿಗೆ ಈ ನಿನ್ನೆಗಳು ಹೇಗೆ ಹೊಣೆಯಾಗಿವೆ ಎಂಬ ದಿಟವನ್ನು ಅರಿಯುವುದಕ್ಕೆ ಬೇಕಾದ ವಿಶ್ಲೇಷಣೆಗಳನ್ನು ಇವರು ಮಾಡಿರುತ್ತಾರೆ. ಅಂಬೇಡ್ಕರ್ ಅವರ ಈ ಹಾದಿಯು ಎಲ್ಲರಿಗೂ ಒಪ್ಪಿತವಾಗುವ ಸತ್ಯವನ್ನು ಹೇಳುವುದಲ್ಲ. ಬದಲಾಗಿ, ಎಲ್ಲ ಸಮೂಹಗಳ ಇವತ್ತಿನ ಬದುಕಿಗೆ ಅಗತ್ಯವಾಗಿರುವ ಹಾದಿಗಳನ್ನು ರೂಪಿಸುವುದಾಗಿತ್ತು. ಆದ್ದರಿಂದ, ಸದ್ಯದ ಚರಿತ್ರೆ, ಸಾಹಿತ್ಯ, ಸಂಸ್ಕೃತಿ, ಆರ್ಥಿಕತೆ ಹಾಗೂ ರಾಜಕಾರಣವನ್ನು ವಿಶ್ಲೇಷಿಸುವುದಕ್ಕೆ ಅಂಬೇಡ್ಕರ್ ಅವರು ರೂಪಿಸಿದ ಈ ತಾತ್ವಿಕ ವಿನ್ಯಾಸಗಳು ಅತ್ಯಂತ ಸಮರ್ಪಕವಾಗಿರುತ್ತವೆ. ಇವರ ಈ ತಾತ್ವಿಕ ವಿನ್ಯಾಸಗಳಲ್ಲಿ ಅನ್ಯ ಪ್ರಭಾವಕ್ಕಿಂತ ಪ್ರೇರಣೆಗಳನ್ನು ಮಾತ್ರ ನಾವು ಕಾಣುತ್ತೇವೆ. ಆದ್ದರಿಂದ ಅಂಬೇಡ್ಕರ್ ಅವರು ರೂಪಿಸಿದ ಮರುರಚನೆಯ (ರೀಕನ್ಸ್ಟ್ರಕ್ಸನ್) ಮಾದರಿಗಳು ಕೇವಲ ತೆರಪುಗಳನ್ನು ತುಂಬುವ ರಚನೆಗಳಾಗದೆ, ವರ್ತಮಾನದ ಬಿಕ್ಕಟ್ಟುಗಳಿಗೆ ಇವುಗಳು ಹೇಗೆ ಕಾರಣವಾಗಿರುತ್ತವೆ ಹಾಗೂ ಇವುಗಳಿಗೆ ಉತ್ತರಗಳನ್ನು ಕಂಡುಕೊಳ್ಳುವ ಬಗೆಗಳಾವುವು ಎಂಬೆಲ್ಲ ಸಂಗತಿಗಳನ್ನು ಕುರಿತು ಅತ್ಯಂತ ವಸ್ತುನಿಷ್ಠ ವಿಶ್ಲೇಷಣೆಗಳನ್ನು ತಮ್ಮ ಬರಹಗಳಲ್ಲಿ ಮಾಡಿರುತ್ತಾರೆ.

ಅಂಬೇಡ್ಕರ್ ಅವರಿಗಿಂತ ಮೊದಲು ಇಂತಹದೊಂದು ನೋಟಕ್ರಮಕ್ಕೆ ಚಾಲನೆಯನ್ನು ಕೊಟ್ಟವರು ಜ್ಯೋತಿರಾವ್ ಫುಲೆಯವರು. ಆದರೆ ಇವರಿಬ್ಬರ ತಿಳಿವಳಿಕೆಗಳನ್ನು ಹೋಲಿಸಿ ನೋಡುವ ಉದ್ದೇಶಕ್ಕಿಂತ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳು ಬೆಳೆಯುವುದಕ್ಕೆ ಬೇಕಾಗಿರುವ ಚಾರಿತ್ರಿಕ ಒತ್ತಡಗಳು ಹೇಗಿರುತ್ತವೆ ಎಂಬ ದಿಟವನ್ನು ಅರಿಯುವುದಕ್ಕೆ, ಫುಲೆಯವರ ಚಿಂತನೆಗಳನ್ನು ಇಲ್ಲಿ ಚರ್ಚಿಸಲಾಗಿದೆ. ಹಾಗೂ ಭಾರತದ ಸನ್ನಿವೇಶದಲ್ಲಿ ಚರಿತ್ರೆ ಕಥನಶಾಸ್ತ್ರಗಳ ವಿಭಿನ್ನ ಸ್ವರೂಪವನ್ನೂ ಈ ಮೂಲಕ ಅರಿಯಬಹುದಾಗಿದೆ. ಜ್ಞಾನಶಿಸ್ತುಗಳನ್ನು ರೂಪಿಸುವ ಪ್ರಕ್ರಿಯೆಯ ಭಾಗವಾಗಿ ಈ ಹಾದಿಯನ್ನು ಕರ್ನಾಟಕದ ವಿದ್ವತ್ ಲೋಕದಲ್ಲಿ ಇಡೀಯಾಗಿ ಅನುಸರಿಸುವುದನ್ನು ನಾನು ಕಾಣಲಾರೆ.

ಅಂದರೆ ಯಾರೂ ಈ ಹಾದಿಯನ್ನು ತುಳಿಯುತ್ತಿಲ್ಲವೆಂದು ಅರ್ಥವಲ್ಲ. ಬದಲಾಗಿ ಇದುವೇ ಮುಖ್ಯಧಾರೆ ಚಿಂತನೆಯ ಕ್ರಮವಾಗಿ ಭಾರತ ಇಲ್ಲವೇ ಕರ್ನಾಟಕದಲ್ಲಿ ಇನ್ನೂ ಬೆಳೆದಿಲ್ಲವೆಂದರ್ಥ. ಆದರೆ ಅಂಬೇಡ್ಕರ್ ಚಿಂತನೆಯ ಮಾದರಿಯೆಂಬುದನ್ನು ಕೇವಲ ಪರ್ಯಾಯ ಆಲೋಚನೆಯ ಕ್ರಮವನ್ನಾಗಿ ಮಾತ್ರ ನೋಡಲಾಗಿದೆ. ಈ ನಿಲುವು ಸರಿಯಲ್ಲ. ಏಕೆಂದರೆ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳೇ ನಮ್ಮ ಮುಖ್ಯಧಾರೆಯ ಆಲೋಚನೆಯ ಕ್ರಮಗಳಾಗಬೇಕಾದ ತುರ್ತು ಇದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

ಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ

Published

on

~ಗೋವರ್ಧನ ನವಿಲೇಹಾಳು 

ಮಧ್ಯ ಕರ್ನಾಟಕದ ಹೃದಯಭಾಗವಾದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಈಗ ಉಪಚುನಾವಣೆಯ ಕಾವು‌ ಏರುತ್ತಲೇ ಇದೆ. ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದಾಗಿ ಖಾಲಿಯಾದ ಈ ಕ್ಷೇತ್ರದಲ್ಲಿ ಏಪ್ರಿಲ್ 9, 2026ರಂದು ಮತದಾನ ನಡೆಯಲಿದೆ. ಫಲಿತಾಂಶ ಮೇ 4ರಂದು ಪ್ರಕಟವಾಗಲಿದೆ. ಈ ಉಪಚುನಾವಣೆಯು ಕೇವಲ ಒಂದು ಸೀಟಿನ ಹೋರಾಟವಲ್ಲ; ಇದು ಕರ್ನಾಟಕ ರಾಜಕೀಯದಲ್ಲಿ ಪ್ರತಿಷ್ಠೆ, ಕುಟುಂಬ ವಾರಸುದಾರಿಕೆ, ಸಮುದಾಯ ಸಮೀಕರಣಗಳು ಮತ್ತು ಅಭಿವೃದ್ಧಿ ನಿರೀಕ್ಷೆಗಳ ನಡುವಿನ ಸಂಕೀರ್ಣ ಸಮರವಾಗಿದೆ.

ಶಾಮನೂರು ಶಿವಶಂಕರಪ್ಪ ಅವರು ತಾನು ಸ್ಪರ್ಧಿಸಿದ ಈ ಕ್ಷೇತ್ರವನ್ನು ಎಂದೂ ಸೋಲದೆ ಉಳಿಸಿಕೊಂಡಿದ್ದರು. ಅವರ ನಂತರ ಕಾಂಗ್ರೆಸ್ ಪಕ್ಷವು ಅವರ ಮೊಮ್ಮಗ ಸಮರ್ಥ್ ಶಾಮನೂರು ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ಇದು ಕಾಂಗ್ರೆಸ್ ಹೇಳುವಂತೆ “ಕುಟುಂಬಕ್ಕೆ ಟಿಕೆಟ್ ನೀಡುವ ಸಾಂಪ್ರದಾಯಿಕ ನಡೆ”ಯಾಗಿದೆ. ಬಿಜೆಪಿ ಪಕ್ಷವು ಶ್ರೀನಿವಾಸ್ ಟಿ. ದಾಸಕರಿಯಪ್ಪ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದೆ. ಇದರ ಜೊತೆಗೆ SDPIಯ ಅಫ್ಸರ್ ಕೊಡ್ಲಿಪೇಟೆ, ಸಾದಿಕ್ ಪೈಲ್ವಾನ್ ಸೇರಿದಂತೆ 25 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಆದರೆ ಮುಖ್ಯ ಹೋರಾಟ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆಯೇ ಇದೆ .

ಈ ಉಪಚುನಾವಣೆಯಲ್ಲಿ ಮುಸ್ಲಿಂ ಸಮುದಾಯದ ಪಾತ್ರ ನಿರ್ಣಾಯಕವಾಗಿದೆ. ಕ್ಷೇತ್ರದಲ್ಲಿ ಮುಸ್ಲಿಂ ಮತದಾರರ ಸಂಖ್ಯೆ ಸುಮಾರು 40% ಇದೆ ಎಂದು ಅಂದಾಜು. ಶಾಮನೂರು ಕುಟುಂಬಕ್ಕೆ ಐತಿಹಾಸಿಕ ಬೆಂಬಲವಿದ್ದರೂ, ಈ ಬಾರಿ ಮುಸ್ಲಿಂ ನಾಯಕರು ಟಿಕೆಟ್ ಆಕಾಂಕ್ಷೆಯನ್ನು ವ್ಯಕ್ತಪಡಿಸಿದ್ದರು. ಕಾಂಗ್ರೆಸ್ ಪಕ್ಷವು ಕುಟುಂಬ ವಾರಸುದಾರಿಕೆಯನ್ನು ಆಯ್ಕೆ ಮಾಡಿದ್ದಕ್ಕೆ ಅಸಮಾಧಾನ ವ್ಯಕ್ತವಾಗಿದೆ. ಸಚಿವ ಜಮೀರ್ ಅಹಮದ್ ಅವರ ಪ್ರಚಾರ ಮತ್ತು ಸಿಎಂ ಸಿದ್ದರಾಮಯ್ಯ ಅವರ ಭೇಟಿಗಳು ಈ ಅಸಮಾಧಾನವನ್ನು ತಣಿಸುವ ಪ್ರಯತ್ನವಾಗಿದೆ. ಆದರೆ ಮುಸ್ಲಿಂ ಮತಗಳ ವಿಭಜನೆಯ ಸಾಧ್ಯತೆ ಇದೆ. SDPI ಮತ್ತು ಇತರ (ಕಾಂಗ್ರೆಸ್ ಸಾದಿಕ್ ಅವರನ್ನು ಪೈಲ್ವಾನ್ ತಟಸ್ಥರಾಗಿರುವಂತೆ ಹೇಳಿದೆ) ಮುಸ್ಲಿಂ ಅಭ್ಯರ್ಥಿಗಳು ಈ ವಿಭಜನೆಯನ್ನು ಹೆಚ್ಚಿಸುವ ಸಾಧ್ಯತೆಯಿದೆ. ಬಿಜೆಪಿ ಎಸ್‌ಟಿ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಅಹಿಂದ ಮತಗಳನ್ನು ಸೆಳೆಯುವ ತಂತ್ರ ರೂಪಿಸಿದೆ.

ಕಾಂಗ್ರೆಸ್ ಪಕ್ಷಕ್ಕೆ ಈ ಉಪಚುನಾವಣೆ ಪ್ರತಿಷ್ಠೆಯ ವಿಷಯವಾಗಿದೆ. ರಾಜ್ಯದಲ್ಲಿ ಆಡಳಿತಾರೂಢ ಪಕ್ಷವಾಗಿ ತನ್ನ ಬಲವನ್ನು ಉಳಿಸಿಕೊಳ್ಳುವುದು ಅತ್ಯಗತ್ಯ. ಸಿಎಂ ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ದಾವಣಗೆರೆ ದಕ್ಷಿಣಕ್ಕೆ 100 ಕೋಟಿ ರೂಪಾಯಿ ಅನುದಾನ ಘೋಷಿಸಿದ್ದು, ಇದು ಉಪಚುನಾವಣೆಗೆ ಮುನ್ನ ಜನರನ್ನು ಆಕರ್ಷಿಸುವ ಪ್ರಯತ್ನವಾಗಿ ಕಾಣುತ್ತಿದೆ. ಅನುಕಂಪದ ಅಲೆಯೂ ಕಾಂಗ್ರೆಸ್‌ಗೆ ಬೆಂಬಲ ನೀಡುವ ಸಾಧ್ಯತೆಯಿದೆ. ಆದರೆ ಪಕ್ಷದಲ್ಲಿ ಬಂಡಾಯದ ಬಿಸಿ ತಟ್ಟಿದೆ. ಕಾಂಗ್ರೆಸ್ ನ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಅವರನ್ನು ಪಕ್ಷ ಚುನಾವಣೆಯಲ್ಲಿ ತಟಸ್ಥರಾಗಿರುವಂತೆ ಹೇಳಿದೆ. ಆದರೆ ಇದು ಮುಸಲ್ಮಾನರ ಒಳಮುನಿಸನ್ನು ತಣಿಸುತ್ತದೆಯೇ ಅಥವಾ ಮತ ವಿಭಜನೆಗೆ ಕಾರಣವಾಗುತ್ತದೆಯೇ ಎಂಬುದು ಫಲಿತಾಂಶದ ಮೇಲೆ ಪರಿಣಾಮವನ್ನಂತೂ ಬೀರುತ್ತದೆ.

ಬಿಜೆಪಿ ಪಕ್ಷಕ್ಕೆ ಇದು ನೈತಿಕ ಸ್ಥೈರ್ಯವನ್ನು ಹೆಚ್ಚಿಸುವ ಅವಕಾಶ. 2023ರ ವಿಧಾನಸಭಾ ಚುನಾವಣೆಯಲ್ಲಿ ಶಾಮನೂರು ಶಿವಶಂಕರಪ್ಪ ಅವರು ಬಿಜೆಪಿ ಅಭ್ಯರ್ಥಿ ಅಜಯ್ ಕುಮಾರ್ ಅವರನ್ನು ಸುಮಾರು 27,888 ಮತಗಳ ಅಂತರದಿಂದ ಸೋಲಿಸಿದ್ದರು. ಈ ಬಾರಿ ಬಿಜೆಪಿ “ಬದಲಾವಣೆ”ಯ ಸಂದೇಶವನ್ನು ನೀಡುತ್ತಿದೆ. ಅಭಿವೃದ್ಧಿ ಕೊರತೆ, ಗ್ಯಾರಂಟಿ ಯೋಜನೆಗಳ ವೆಚ್ಚ ಮತ್ತು ಸರ್ಕಾರದ ನೀತಿಗಳ ವಿರುದ್ಧ ವಾಗ್ದಾಳಿ ನಡೆಸುತ್ತಿದೆ. ಶ್ರೀನಿವಾಸ್ ದಾಸಕರಿಯಪ್ಪ ಅವರು ಕುಟುಂಬ ರಾಜಕಾರಣಕ್ಕೆ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ. ಆದರೆ ಬಿಜೆಪಿಗೆ ಕ್ಷೇತ್ರದಲ್ಲಿ ಐತಿಹಾಸಿಕ ಬೆಂಬಲ ಕಡಿಮೆ. ಮುಸ್ಲಿಂ ಮತ್ತು ಅಹಿಂದ ಮತಗಳನ್ನು ತನ್ನತ್ತ ಸೆಳೆಯುವುದು ಅವರ ದೊಡ್ಡ ಸವಾಲು.

ದಾವಣಗೆರೆ ದಕ್ಷಿಣ ಕ್ಷೇತ್ರವು ಕೈಗಾರಿಕೆ, ವ್ಯಾಪಾರ ಮತ್ತು ಕೃಷಿಯ ಸಮ್ಮಿಶ್ರಣವಾಗಿದೆ. ರಸ್ತೆಗಳು, ನೀರಾವರಿ, ಉದ್ಯೋಗ, ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳು ಜನರ ಮುಖ್ಯ ನಿರೀಕ್ಷೆಗಳು. ಹಿರಿಯ ಶಾಸಕರ ಕಾಲದಲ್ಲಿ ಕ್ಷೇತ್ರಕ್ಕೆ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದ್ದವು. ಆದರೆ ಇಂದು ಯುವಕರ ಉದ್ಯೋಗ, ಮಹಿಳೆಯರ ಸುರಕ್ಷತೆ ಮತ್ತು ಸ್ಥಳೀಯ ಸಮಸ್ಯೆಗಳು ಬಗೆಹರಿಯಬೇಕಿದೆ. ಉಪಚುನಾವಣೆಯಲ್ಲಿ ಅಭ್ಯರ್ಥಿಗಳು ಭರವಸೆಗಳ ಮಳೆ ಸುರಿಸುತ್ತಿದ್ದಾರೆ. ಆದರೆ ಜನರು ನೋಡುವುದು ಕಾರ್ಯನಿರ್ವಹಣೆಯನ್ನು. 100 ಕೋಟಿ ಅನುದಾನ ಘೋಷಣೆಯಂತಹ ಕ್ರಮಗಳು ತಾತ್ಕಾಲಿಕ ಆಕರ್ಷಣೆಯಾಗಬಹುದು, ಆದರೆ ಸುಸ್ಥಿರ ಅಭಿವೃದ್ಧಿ ಅಗತ್ಯ.

ರಾಜಕೀಯವು ಜನಸೇವೆಗಾಗಿ ಇರಬೇಕು, ಅಧಿಕಾರಕ್ಕಾಗಿ ಅಲ್ಲ ಎಂಬುದು ಎಲ್ಲರೂ ಹೇಳುವ ಮಾತು. ಆದರೆ ವಾಸ್ತವದಲ್ಲಿ ಕುಟುಂಬ ರಾಜಕಾರಣ, ಜಾತಿ-ಸಮುದಾಯ ಲೆಕ್ಕಾಚಾರಗಳು ಪ್ರಬಲವಾಗಿವೆ. ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬದ ವರ್ಚಸ್ಸು ದೀರ್ಘಕಾಲದ್ದು. ಇದು ಜನಸೇವೆಯ ಫಲವೋ ಅಥವಾ ವ್ಯವಸ್ಥೆಯ ದೌರ್ಬಲ್ಯವೋ ಎಂಬುದನ್ನು ಜನರು ನಿರ್ಧರಿಸಬೇಕು. ಬಿಜೆಪಿ “ಬದಲಾವಣೆ”ಯ ಸಂದೇಶ ನೀಡುತ್ತಿದ್ದರೂ, ಅದು ಕೇವಲ ವಿರೋಧ ಪಕ್ಷದ ಧ್ವನಿಯಾಗಿ ಉಳಿಯದೆ ಸಕಾರಾತ್ಮಕ ಪರ್ಯಾಯವಾಗಬೇಕು.

ಈ ಉಪಚುನಾವಣೆಯಲ್ಲಿ ಮತದಾರರ ಜವಾಬ್ದಾರಿ ದೊಡ್ಡದು. ಅನುಕಂಪ, ಕುಟುಂಬ ನಿಷ್ಠೆ ಅಥವಾ ಸಮುದಾಯ ಲೆಕ್ಕಾಚಾರಕ್ಕಿಂತ ಹೆಚ್ಚಾಗಿ ಅಭಿವೃದ್ಧಿ, ಪಾರದರ್ಶಕತೆ ಮತ್ತು ಜನೋಪಯೋಗಿ ಕಾರ್ಯಗಳನ್ನು ಆಧರಿಸಿ ಮತ ನೀಡಬೇಕು. ಯುವಕರು ಮತ್ತು ಮಹಿಳೆಯರು ಹೆಚ್ಚು ಸಕ್ರಿಯರಾಗಬೇಕು. ಮತದಾನ ಶೇಕಡಾ 80ಕ್ಕಿಂತ ಹೆಚ್ಚು ಆಗುವಂತೆ ಮಾಡುವುದು ಪ್ರಜಾಪ್ರಭುತ್ವದ ಆರೋಗ್ಯಕ್ಕೆ ಸೂಚಕ.

ಕರ್ನಾಟಕ ರಾಜಕೀಯದಲ್ಲಿ ಉಪಚುನಾವಣೆಗಳು ಸಣ್ಣ ಪರೀಕ್ಷೆಗಳು. ದಾವಣಗೆರೆ ದಕ್ಷಿಣದ ಫಲಿತಾಂಶವು 2028ರ ವಿಧಾನಸಭಾ ಚುನಾವಣೆಗೆ ಸಂದೇಶ ನೀಡುತ್ತದೆ. ಕಾಂಗ್ರೆಸ್ ಗೆದ್ದರೆ ಅದು ತನ್ನ ಬಲವನ್ನು ಮತ್ತಷ್ಟು ಭದ್ರಪಡಿಸಿಕೊಳ್ಳುತ್ತದೆ. ಬಿಜೆಪಿ ಗೆದ್ದರೆ ಅದು ವಿರೋಧ ಪಕ್ಷವಾಗಿ ತನ್ನ ಸಾಮರ್ಥ್ಯವನ್ನು ತೋರಿಸುತ್ತದೆ. ಆದರೆ ಗೆಲುವು ಯಾರದ್ದಾದರೂ, ಜಯಿಸುವುದು ದಾವಣಗೆರೆ ದಕ್ಷಿಣದ ಜನರೇ ಆಗಬೇಕು.

ಈ ಹೋರಾಟದಲ್ಲಿ ರಾಜಕೀಯ ಪಕ್ಷಗಳು ಜನರ ಸಮಸ್ಯೆಗಳನ್ನು ಕೇಂದ್ರದಲ್ಲಿ ಇರಿಸಿಕೊಂಡು ಪ್ರಚಾರ ಮಾಡಲಿ. ಮತದಾರರು ತಮ್ಮ ಧ್ವನಿಯನ್ನು ಸ್ಪಷ್ಟವಾಗಿ ಮತ್ತು ನಿರ್ಭಯವಾಗಿ ವ್ಯಕ್ತಪಡಿಸಲಿ. ದಾವಣಗೆರೆ ದಕ್ಷಿಣ ಉಪಚುನಾವಣೆಯು ಪ್ರಜಾಪ್ರಭುತ್ವದ ಸೌಂದರ್ಯವನ್ನು ಪ್ರದರ್ಶಿಸುವ ಅವಕಾಶವಾಗಲಿ. ಅಭಿವೃದ್ಧಿ, ಸಮಾನತೆ ಮತ್ತು ಪಾರದರ್ಶಕ ಆಡಳಿತದತ್ತ ಕ್ಷೇತ್ರ ಸಾಗಲಿ ಎಂಬುದೇ ನಮ್ಮ ಆಶಯ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ದಿನದ ಸುದ್ದಿ

ತತ್ವಪದಗಳು ಸಾರ್ವಕಾಲಿಕ ಬೆಳಕನಿಧಿ: ಕಾ.ತ.ಚಿಕ್ಕಣ್ಣ

Published

on

ಸುದ್ದಿದಿನ,ಬೆಂಗಳೂರು:ತತ್ವಪದಗಳು ಎಲ್ಲ ಕಾಲಕ್ಕೂ ಸಲ್ಲುವಂತಹ ಬೆಳಕನ್ನು ನೀಡುವ ಸೃಜನಶೀಲ ಸಂರಚನೆಗಳಾಗಿವೆ ಎಂದು ಕರ್ನಾಟಕ ಸರ್ಕಾರದ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಅಧ್ಯಕ್ಷರಾದ ಶ್ರೀ ಕಾ.ತ.ಚಿಕ್ಕಣ್ಣ ಅವರು ಅಭಿಪ್ರಾಯಪಟ್ಟರು.

ಬೆಂಗಳೂರಿನ ಕೆ.ನಾರಾಯಣಪುರದ ಕ್ರಿಸ್ತು ಜಯಂತಿ ಡೀಮ್ಡ್ ವಿಶ್ವವಿದ್ಯಾನಿಲಯದ ಕನ್ನಡ ವಿಭಾಗ ಹಾಗೂ ಕರ್ನಾಟಕ ಸರ್ಕಾರದ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಕನ್ನಡ ತತ್ವಪದ ಸಾಹಿತ್ಯ: ಸಾಂಸ್ಕೃತಿಕ ಅನುಸಂಧಾನ’ ವಿಷಯ ಕುರಿತಾದ ಒಂದು ದಿನದ ರಾಷ್ಟ್ರೀಯ ವಿಚಾರಸಂಕಿರಣದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ ತತ್ವಪದ ಸಾಹಿತ್ಯ ರೂಪುಗೊಂಡಿದ್ದ ಕಾಲವನ್ನು ಕತ್ತಲಯುಗ ಎಂದು ಕರೆದು ವಿಸ್ಮೃತಿಗೆ ತಳ್ಳಲಾಗಿತ್ತು. ಆದರೆ ಆ ಕತ್ತಲೆಯುಗದಲ್ಲಿಯೇ ಜಗತ್ತಿಗೆ ಮಹೋನ್ನತ ಬೆಳಕು ನೀಡುವ ನುಡಿರತ್ನಗಳು ರಚನೆಗೊಂಡಿದ್ದವು. ತತ್ವಪದಕಾರರು ಪರಂಪರೆಯೊಂದಿಗೆ ಸಂವಾದ ನಡೆಸುತ್ತಾ ವರ್ತಮಾನಕ್ಕೆ ಸೂಕ್ತವಾಗಿ ಅನ್ವಯವಾಗುವ ಹಾಗೂ ಭವಿಷ್ಯಕ್ಕೆ ಬೇಕಾದ ಜಾಗೃತಿಯನ್ನು ನೀಡುವ ಮೂಲಕ ಕನ್ನಡ ಸಂಸ್ಕೃತಿಯಲ್ಲಿ ತಮ್ಮದೇ ಆದ ಮೌಲ್ಯಯುತ ಸ್ಥಾನವನ್ನು ಪಡೆದುಕೊಂಡಿವೆ. ಸಮಾಜದಲ್ಲಿರುವ ಜಾತಿಭೇದ, ಲಿಂಗಭೇದ, ವರ್ಣಭೇದ ಮೊದಲಾದ ವಿಷಕಾರಿ ಮನಸ್ಥಿತಿಗೆ ತತ್ವಪದಕಾರರು ತಮ್ಮ ನುಡಿ-ನಡೆಗಳ ಮೂಲಕ ಚಿಕಿತ್ಸೆ ನೀಡುವ ಮೂಲಕ ಬದುಕಿನ ಸತ್ಯ ಮತ್ತು ಸಾರ್ಥಕತೆಯನ್ನು ಸಾಧಿಸಿತೋರಿದ್ದಾರೆ ಎಂದು ತಿಳಿಸಿದರು.

ವಿಶ್ವಾತ್ಮಕವಾದ ಸಂವೇದನೆಯ ತತ್ವಪದ ಸಾಹಿತ್ಯ

ವಿಚಾರಸಂಕಿರಣವನ್ನು ಉದ್ಘಾಟನೆ ಮಾಡಿದ ಕ್ರಿಸ್ತು ಜಯಂತಿ ವಿವಿಯ ಸಂಸೋಧನೆ ಮತ್ತು ಅಭಿವೃದ್ಧಿ ವಿಭಾಗದ ನಿರ್ದೇಶಕರಾದ ಫಾ.ಡಾ.ಮರಿಯಾಲಾಲ್ ಜೋಸೆಫ್ ಅವರು, ಕನ್ನಡದ ತತ್ವಪದಗಳು ಜನಸಾಮಾನ್ಯರ ವೇದಗಳಾಗಿವೆ. ಕನ್ನಡ ಸಾಹಿತ್ಯಕ್ಕೆ ಸಂಗೀತಾತ್ಮಕ ಶಾಸ್ತ್ರೀಯ ಸಂರಚನೆಯ ಜೊತೆಗೆ ವಿಶ್ವಾತ್ಮಕವಾದ ಸಂವೇದನೆಯ ಮೂಲಕ ಮಹತ್ತರವಾದ ಕೊಡುಗೆ ನೀಡಿದ್ದು ತತ್ವಪದ ಸಾಹಿತ್ಯ.

ಮಧ್ಯಯುಗೀನ ಕಾಲದ ಭಕ್ತಿಚಳವಳಿಯ ಭಾಗವಾಗಿ ಮೂಡಿಬಂದ ವಚನ ಸಾಹಿತ್ಯ ಹಾಗೂ ಕೀರ್ತನ ಸಾಹಿತ್ಯಗಳು ಕರ್ನಾಟಕದಲ್ಲಿ ಮೂಡಿಸಿದ ಸಾಂಸ್ಕೃತಿಕ ಚೈತನ್ಯಶೀಲತೆಯನ್ನು ನಂತರದಲ್ಲಿ ಮುಂದುವರೆಸುವ ಮೂಲಕ ಮತ್ತಷ್ಟು ಎತ್ತರಕ್ಕೆ ಕೊಂಡೊಯ್ದದ್ದು ತತ್ವಪದ ಸಾಹಿತ್ಯವಾಗಿದೆ. ಇಂದಿನ ಆವೇಗದ ಆಧುನಿಕ ಜಗತ್ತಿಗೆ ತತ್ವಪದಕಾರರು ನೀಡಿದ ಅರಿವಿನ ಬೆಳಕು ಅತ್ಯಗತ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.

ನಿಜತ್ವ ಬೆಳಗುವ ದಾರಿದೀಪ ತತ್ವಪದಗಳು-ಪದ್ಮಾಲಯ ನಾಗರಾಜ್: ಪ್ರಧಾನಗೋಷ್ಠಿಯ ಅಧ್ಯಕ್ಷತೆ ವಹಿಸಿ ತತ್ವಪದಗಳ ಸಾಂಸ್ಕೃತಿಕ ಮಹತ್ವ ಕುರಿತು ಮಾತನಾಡಿದ ಅಚಲ ಸಾಧಕರಾದ ಪದ್ಮಾಲಯ ನಾಗರಾಜ್ ಅವರು, ಜಗತ್ತಿನಾದ್ಯಂತ ಇಂದು ನಡೆಯುತ್ತಿರುವ ಅಧಿಕಾರ ಹಾಗೂ ವ್ಯಾಪಾರದಾಹೀ ರಾಜಕೀಯ ಲಂಪಟ, ಆರ್ಥಿಕ ಲಂಪಟ ಹಾಗೂ ಸಾಮಾಜಿಕ ಅಸಮಾನ ಸೃಷ್ಟಿಗಳು ಮಾನವಲೋಕವನ್ನು ಭ್ರಮೆ ಮತ್ತು ಅಸತ್ಯದತ್ತ ಕೊಂಡೊಯ್ಯುತ್ತಿವೆ. ಅವೈಜ್ಞಾನಿಕ ಕಲ್ಪನೆಗಳನ್ನು ಹುಟ್ಟುಹಾಕುತ್ತಾ ವಾಸ್ತವಿಕತೆಯಿಂದ ದೂರಮಾಡುತ್ತಿವೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ನಿರಂತರ ಆಗುವಿಕೆಯ ಅನಂತವಿಶ್ವದಲ್ಲಿ ನಾವೊಂದು ಬಿಂದುವೆಂಬ ಸತ್ಯದರ್ಶನ ಮಾಡಿಸುವ ಮೂಲಕ ನಿಜತ್ವವನ್ನು ಬೆಳಗುವ ದಾರದೀಪವಾಗಿವೆ ತತ್ವಪದಗಳು ಎಂದು ತಿಳಿಸಿದರು.

‘ತತ್ವಪದಕಾರ್ತಿಯರ ಲೋಕದೃಷ್ಠಿ’ಯನ್ನು ಕುರಿತು ವಿಚಾರಮಂಡನೆ ಮಾಡಿದ ಡಾ.ಶೋಭಾರಾಣಿ ಎನ್. ಅವರು, ‘ತತ್ವಪದಕಾರ್ತಿಯರು ಸಂಸಾರದ ಸಹಯಾನದೊಂದಿಗೇ ಅಧ್ಯಾತ್ಮಿಕ ಸಾಧನೆಯನ್ನು ಮಾಡಬಹುದೆಂದು ಸಾಧಿಸಿತೋರಿದ್ದಾರೆ. ನಿರ್ಭೀತ ನುಡಿಕಾರರು ತತ್ವಪದಕಾರ್ತಿಯರು. ಮಹಿಳಾ ತತ್ವಪದಕಾರರ ಇನ್ನೂ ಎಷ್ಟೋ ತತ್ವಪದಗಳು ಸಂಗ್ರಹವಾಗಬೇಕಿದೆ’ ಎಂದು ಅಭಿಪ್ರಯಪಟ್ಟರು.

‘ಕನ್ನಡ ತತ್ವಪದಗಳು ಮತ್ತು ಬಹುತ್ವ ಭಾರತ’ ಕುರಿತು ಮಾತನಾಡಿದ ರವಿ ಕಂಬಳಿ ಅವರು, ಬಹುಸಂಸ್ಕೃತಿಗಳಿರುವ ಭಾರತದಲ್ಲಿ ಏಕರೂಪೀತನದ ಯಾಜಮಾನ್ಯ ಹೇರುವ ದೌರ್ಜನ್ಯ ಹಾಗೂ ಸಮಸ್ಯೆಗಳಿಗೆ ಪ್ರತಿಕ್ರಿಯೆಯಾಗಿ ಕನ್ನಡ ತತ್ವಪದಕಾರರು ಬಹುತ್ವವನ್ನು ತಮ್ಮ ಸಾಹಿತ್ಯದ ಆಶಯ ಹಾಗೂ ಬದುಕಿನ ಆಚರಣೆಯನ್ನಾಗಿ ಮಾಡಿಕೊಂಡರು. ಮೌಢ್ಯರಹಿತವಾದ ಸಮಸಮಾಜ ಕಲ್ಪನೆ ಅವರದಾಗಿತ್ತು. ತಮಗಿಂತಲೂ ಹಿಂದೆ ಹಲವು ಬಗೆಯ ಬಹುತ್ವದ ಮಾದರಿಗಳನ್ನು ಪ್ರತಿಪಾದಿಸಿದ್ದ ವಚನಕಾರರು ಇವರಿಗೆ ಆದರ್ಶವಾಗಿದ್ದರು ಎಂದು ತಿಳಿಸಿದರು.

ವಿಚಾರಸಂಕಿರಣದ ಭಾಗವಾಗಿ ಹೊರತರಲಾಗಿದ್ದ ‘ಕನ್ನಡ ತತ್ವಪದ ಸಾಹಿತ್ಯ

ಸಾಂಸ್ಕೃತಿಕ ಅನುಸಂಧಾನ-ಸಂಪುಟ 1 ಮತ್ತು 2’ ಕೃತಿಗಳನ್ನು ಲೋಕಾರ್ಪಣೆಗೊಳಿಸಲಾಯಿತು. ಪ್ರಸಿದ್ಧ ಗಾಯಕರಾದ ಶ್ರೀ ಖಾಸೀಂ ಮಲ್ಲಿಗೆ ಮಡುವು ತತ್ವಪದ ಗಾಯನವನ್ನು ಪ್ರಸ್ತುತಪಡಿಸಿದರು. ಪರ್ಯಾಯಗೋಷ್ಠಿಗಳಲ್ಲಿ 6೦ಕ್ಕೂ ಹೆಚ್ಚು ಸಂಶೋಧಕರು ಪ್ರಬಂಧ ಮಂಡನೆ ಮಾಡಿದರು.

ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದ ಮಾನವಿಕ ವಿಭಾಗದ ಡೀನರಾದ ಡಾ.ಗೋಪಕುಮಾರ್ ಎ.ವಿ. ಅವರು ಮುಖ್ಯ ಅತಿಥಿಯಾಗಿದ್ದರು. ಕನ್ನಡ ವಿಭಾಗದ ಮುಖ್ಯಸ್ಥರಾದ ಕ್ಯಾಪ್ಟನ್ ಡಾ.ಸರ್ವೇಶ್ ಬಿ.ಎಸ್. ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ವಿಚಾರಸಂಕಿರಣದ ಸಂಯೋಜಕರಾದ ಡಾ.ಕಿರಣಕುಮಾರ್ ಹೆಚ್.ಜಿ ಅವರು ವಂದಿಸಿದರು.

ಕನ್ನಡ ಪ್ರಾಧ್ಯಾಪಕರಾದ ಡಾ.ಕುಪ್ಪನಹಳ್ಳಿ ಎಂ.ಭೈರಪ್ಪ ಅವರು ನಿರೂಪಿಸಿದರು. ಕನ್ನಡ ಪ್ರಾಧ್ಯಾಪಕರಾದ ಪ್ರೊ.ಚಂದ್ರಶೇಖರ್ ಎನ್., ಡಾ.ಸೈಯದ್ ಮುಯಿನ್, ಡಾ.ರವಿಶಂಕರ್ ಎ.ಕೆ., ತತ್ವಪದಕಾರರ ಅಧ್ಯಯನ ಕೇಂದ್ರದ ಸಿಬ್ಬಂದಿವರ್ಗದವರಾದ ರಜತಾ ಶೆಟ್ಟಿ ಹಾಗೂ ಸುಪ್ರಿಯಾ ಅವರು ಉಪಸ್ಥಿತರಿದ್ದರು. 200ಕ್ಕೂ ಹೆಚ್ಚು ಅಧ್ಯಾಪಕರು, ಸಂಶೋಧಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ1 day ago

ಅಲ್ಪಸಂಖ್ಯಾತರ ಇಲಾಖೆ ನಿರ್ದೇಶಕ ಜಿಲಾನಿ ಎಚ್. ಮೊಕಾಶಿ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ:ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ ಇಲಾಖೆಯ ನಿಯಮಾನುಸಾರ ಬಯೋಟ್ರಿಕ್ ಹಾಜರಾತಿ ಅಳವಡಿಸಿಕೊಳ್ಳದೆ ಸರ್ಕಾರಕ್ಕೆ ವಂಚಿಸಿರುವ ಬಗ್ಗೆ ದೂರು ನೀಡಿ ನಿಗಧಿತ ಅವಧಿ...

ದಿನದ ಸುದ್ದಿ3 days ago

ಬಳ್ಳಾರಿ ಗಾಂಧಿನಗರ ಠಾಣೆಯ ವ್ಯಾಪ್ತಿ ಜೂಜಾಟ | ಠಾಣೆಯ ಅಧಿಕಾರಿಗಳು ಮೌನ ; ಕ್ರಮ ಕೈಗೊಳ್ತಾರಾ ಎಸ್ ಪಿ..?

ಗಿರೀಶ್ ಬಳ್ಳಾರಿ ಸುದ್ದಿದಿನ,ಬಳ್ಳಾರಿ:ನಗರದ ಗಾಂಧಿ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ರಾತ್ರಿ 10 ಗಂಟೆಯ ನಂತರ ಕೊಂಡಯ್ಯ ಫ್ಯಾಕ್ಟರಿಯ ಹುಸೇನ್ ನಗರದ ಜಾಲಿ ಬೇಲಿಯ ಒಳಭಾಗದಲ್ಲಿ ಅಕ್ರಮವಾಗಿ...

ದಿನದ ಸುದ್ದಿ3 days ago

ಪಂಚಪಾಡಿ ಪದ್ಧತಿಯಲ್ಲಿ ವಿದ್ಯಾಭ್ಯಾಸ | ತ್ಯಾವಣಿಗೆಯ ಮಂದಾರ ಶಾಲೆಯಲ್ಲಿ ಪ್ರವೇಶ ಪ್ರಾರಂಭ

~ವಿದ್ಯಾನಾಯ್ಕ್ ಅರೇಹಳ್ಳಿ ಸುದ್ದಿದಿನ,ದಾವಣಗೆರೆ:ಚನ್ನಗಿರಿ ತಾಲೂಕು ವ್ಯಾಪ್ತಿಯ ತ್ಯಾವಣಿಗೆ ಗ್ರಾಮದಲ್ಲಿ ಪಂಚಪಾಡಿ ಮತ್ತು ಆಧುನಿಕ ಪದ್ಧತಿಯಲ್ಲಿ ಮಕ್ಕಳಿಗೆ ವಿದ್ಯಾಭ್ಯಾಸ ನೀಡುವ ಒಂದು ವಿನೂತನ ಕಾರ್ಯಕ್ಕೆ ಮುಂದಡಿ ಇಟ್ಟಿದ್ದಾರೆ. ಪಂಚಪಾಡಿ...

ಅಂಕಣ3 days ago

ಗೆಳೆತನದ ಮಹತ್ವ ಸಾರುವ ಕುಚುಕು ಇಂದಿನಿಂದ ಅಮೋಘ ಪ್ರಾರಂಭ ; ದಾವಣಗೆರೆ ಹುಡುಗ ಅರ್ಜುನ್ ಚೌಹಾಣ್ ಅವರ ಮೂರನೇ ಚಿತ್ರ ತೆರೆಗೆ

ವಿದ್ಯಾನಾಯ್ಕ್ ಅರೇಹಳ್ಳಿ ಸುದ್ದಿದಿನ,ದಾವಣಗೆರೆ:ಬಂಜಾರ ಸಮುದಾಯದ ಪ್ರತಿಭಾನ್ವಿತ ನಟ ಹಾಗೂ ನಿರ್ದೇಶಕರಾದ ಅರ್ಜುನ್ ಚೌಹಾಣ್ ನಟನೆಯ ಕುಚುಕು ಚಿತ್ರ ದಾವಣಗೆರೆ ನಗರದ ತ್ರಿಶುಲ್ ಚಿತ್ರಮಂದಿರದಲ್ಲಿ ಇಂದಿನಿಂದ ಪ್ರದರ್ಶನ ಕಾಣಲಿದೆ....

ದಿನದ ಸುದ್ದಿ4 days ago

ಕೀಲು ಮತ್ತು ಮೂಳೆ ಚಿಕಿತ್ಸೆ ; ರೋಬೋಟಿಕ್ ಮತ್ತು ಮಿನಿಮಲಿ ಇನ್ನೇಸಿವ್ ಸರ್ಜರಿಗಳಲ್ಲಿ‌ ಮಹತ್ವದ ಬದಲಾವಣೆ : ಡಾ.ಲೋಕೇಶ್ ಎ. ವೀರಪ್ಪ

ಸುದ್ದಿದಿನ,ದಾವಣಗೆರೆ:ವಯೋಸಹಜವಾಗಿ ಕಂಡುಬರುವ ಮೊಣಕಾಲು, ಸೊಂಟ, ಭುಜ ಮತ್ತು ಕ್ರೀಡಾ ಸಂಬಂಧಿತ ಸಂಧಿ ಸಮಸ್ಯೆಗಳಿಗೆ ಸಮಯೋಚಿತ ಚಿಕಿತ್ಸೆ ಮತ್ತು ನೂತನ ಶಸ್ತ್ರಚಿಕಿತ್ಸಾ ತಂತ್ರಜ್ಞಾನಗಳು ಹೇಗೆ ಸಹಾಯವಾಗುತ್ತಿವೆ ಹಾಗೂ ಈ...

ದಿನದ ಸುದ್ದಿ4 days ago

ದಾವಣಗೆರೆ | ಇದೇ 22 ರಂದು ಕರ್ನಾಟಕ ಎಜುಕೇಶನ್ ಎಕ್ಸ್ ಪೋ – 2026 ಕಾರ್ಯಕ್ರಮ

ಸುದ್ದಿದಿನ,ದಾವಣಗೆರೆ:ಬೆಂಗಳೂರಿನ ಜಿಎಂಕೆ ಎಡು ಟೆಕ್ ರಾಜ್ಯದ ಸಮಸ್ತ ಖಾಸಗಿ ಅನುದಾನರಹಿತ ಶಾಲಾ ಮುಖ್ಯಸ್ಥರು, ಆಡಳಿತ ಮಂಡಳಿಯ ಸದಸ್ಯರು ಹಾಗೂ ಶಿಕ್ಷಣ ಕ್ಷೇತ್ರದ ಆಸಕ್ತರಿಗಾಗಿ ನಾಳೆ (ಮೇ22) ರಂದು...

ದಿನದ ಸುದ್ದಿ5 days ago

ಈಜುಕೊಳದಲ್ಲಿ ಸಾವು ; ಪರಿಹಾರಕ್ಕೆ ಆದೇಶ

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಮೊಹಮ್ಮದ್ ಮುಕ್ತಿಯಾರ್ ಬಿನ್ ಎಸ್. ಆರ್ ಸಮೀವುಲ್ಲ ಇವರ ಮಗ ಮೊಹಮ್ಮದ್ ಮುಬಾರಕ್ @ ಮುಬಾರಕ್ ಈತ...

ದಿನದ ಸುದ್ದಿ6 days ago

ಸ್ವಾಮಿ ವಿವೇಕಾನಂದರ ಚಿಂತನೆಗಳಿಂದ ಯುವಜನತೆಗೆ ಪ್ರೇರಣೆ ; ವಿಶ್ವನಾಥ.ಡಿ. ಅರ್

ಸುದ್ದಿದಿನ,ಬನ್ನಿಕೋಡು:ಮಾ.ಸ.ಬ. ಕಾಲೇಜ್, ದಾವಣಗೆರೆ ಹಾಗೂ ಬನ್ನಿಕೋಡು ಗ್ರಾಮದ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಎನ್‌.ಎಸ್‌.ಎಸ್‌. (ರಾಷ್ಟ್ರೀಯ ಸೇವಾ ಯೋಜನೆ) ವಿಶೇಷ ಶಿಬಿರದ ಎರಡನೇ ದಿನದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೊ....

ದಿನದ ಸುದ್ದಿ6 days ago

ಲೋಕಾಯುಕ್ತ ಪೋಲಿಸ್ ಇನ್ಸ್‌ಪೆಕ್ಟರ್ ಪ್ರಭು ಬಿ. ಸೂರಿನ ಅವರಿಂದ ಕಾನೂನು ಅರಿವು

ಸುದ್ದಿದಿನ,ಬನ್ನಿಕೋಡು: ಮಾ.ಸ.ಬ. ಕಾಲೇಜು, ದಾವಣಗೆರೆ ಹಾಗೂ ಬನ್ನಿಕೋಡು ಗ್ರಾಮದ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಎನ್‌.ಎಸ್‌.ಎಸ್‌. (ರಾಷ್ಟ್ರೀಯ ಸೇವಾ ಯೋಜನೆ) ವಿಶೇಷ ಶಿಬಿರದ ಅಧ್ಯಕ್ಷತೆಯನ್ನು ಮಾ.ಸ.ಬ. ಕಾಲೇಜಿನ ವಾಣಿಜ್ಯ...

ದಿನದ ಸುದ್ದಿ7 days ago

ತ್ಯಾವಣಿಗೆಯ ಪ್ರಸಿದ್ಧ ಐವಿನ್ ಕಂಪ್ಯೂಟರ್ ತರಬೇತಿ ಕೇಂದ್ರ ; ಸೃಜನಶೀಲ ಚಟುವಟಿಕೆಯೊಂದಿಗೆ ಕಂಪ್ಯೂಟರ್ ಕಲಿಸ್ತಾರೆ ಈ ಚೇತನ್

ಸುದ್ದಿದಿನ ವಿಶೇಷ – ವಿದ್ಯಾನಾಯ್ಕ್ ಅರೇಹಳ್ಳಿ ಸುದ್ದಿದಿನ,ದಾವಣಗೆರೆ : ಕಂಪ್ಯೂಟರ್ ತರಬೇತುದಾರರೊಬ್ಬರು ತನ್ನ ಕಂಪ್ಯೂಟರ್ ತರಬೇತಿ ಕೇಂದ್ರಕ್ಕೆ ಬರುವ ಶಿಭಿರಾರ್ಥಿ ಗಳಿಗೆ ಕೇವಲ ಕಂಪ್ಯೂಟರ್ ತರಬೇತಿ ಮಾತ್ರವಲ್ಲದೆ...

Trending