ನೆಲದನಿ
ದಮನಿತರ ಬದುಕಿನ ಆಶಾಕಿರಣ ಮಂಜಮ್ಮ ಜೋಗತಿಯ ಕಲಾ ಬದುಕು
ಜಾನಪದ ಸಿರಿವಂತಿಕೆ ಎಂಬುದು ಒಂದು ನಾಡಿನ ಪ್ರಾದೇಶಿಕ ವೈಶಿಷ್ಟ್ಯತೆಯ ಪ್ರತೀಕವಾಗಿರುತ್ತದೆ. ಇಂತಹ ಜಾನಪದವು ಪ್ರಾದೇಶಿಕ ಸತ್ವವನ್ನು ಅರಿಯುವುದಕ್ಕೆ, ಗುರುತಿಸುವುದಕ್ಕೆ ಸಹಕಾರಿಯಾಗುತ್ತದೆ. ಒಂದು ನಾಡಿನ ಜನರ ಜೀವಂತ ಸಾಹಿತ್ಯವಾಗಿರುವ ಜನಪದವು ಸಾಮಾನ್ಯರ ಬದುಕಿನೊಂದಿಗೆ ಬೆರೆತುಕೊಂಡಿರುತ್ತದೆ. ಇಂತಹ ಜಾನಪದಕ್ಕೂ ಬಡತನದ ಬದುಕಿಗೂ ಅವಿನಾಭಾವ ಸಂಬಂಧವಿದೆ. ಜಾನದಪ ಕಲೆಗಳು ಇಂದಿಗೂ ಜೀವಂತವಾಗಿರುವುದು ಬಡವರ ಗುಡಿಸಲುಗಳಲ್ಲೆ. ಹೀಗಾಗಿ ಜಾನಪದ ಸಿರಿವಂತಿಕೆಗೆ ಆಶ್ರಯ ತಾಣಗಳಾಗಿರುವುದು ಬಡವರ ಗುಡಿಸಲುಗಳೆ. ಆದ್ದರಿಂದ ಜಾನಪದಕ್ಕೂ ಬಡತನದ ಬದುಕಿಗೂ ಬಿಡಿಸಲಾರದ ಬಂಧವೊಂದಿದೆ. ಈ ಬಂಧವು ಚರಿತೆಯುದ್ಧಕ್ಕೂ ತನ್ನ ನಿರಂತರವಾದ ಪಯಣವನ್ನು ಮುಂದುವರೆಸಿಕೊಂಡು ಬಂದಿದೆ.
ಇಂತಹ ನಾಡಿನ ಜೀವನಾಡಿಯಾದ ಜಾನಪದ ಕಲೆಯನ್ನು ತಮ್ಮ ಬದುಕಿನ ಭಾಗವಾಗಿ ಕಾಪಾಡಿಕೊಂಡು ಬಂದವರಲ್ಲಿ ಮಂಜಮ್ಮ ಜೋಗತಿಯವರು ಒಬ್ಬರಾಗಿದ್ದಾರೆ. ಇವರು ಜಾನಪದದ ವಿವಿಧ ಪ್ರಕಾರಗಳಲ್ಲಿ ಒಂದಾಗಿರುವ ಜೋಗತಿ ನೃತ್ಯ ಹಾಗೂ ಹಾಡುಗಾರಿಕೆ ಪರಂಪರೆಯನ್ನು ಮುಂದುವರೆಸಿಕೊಂಡು ಬಂದಿದ್ದು ಮಾತ್ರವಲ್ಲದೆ ಈ ಸಾಹಿತ್ಯ ಪ್ರಕಾರದ ಉಳಿವಿಗಾಗಿ ಅವಿರತ ಶ್ರಮವನ್ನು ವ್ಯಕ್ತಪಡಿಸಿದ್ದಾರೆ. ಹೀಗಾಗಿ ಮಂಜಮ್ಮ ಜೊಗತಿಯು ನಾಡು ಕಂಡ ‘ಜೋಗತಿ ಸಿರಿ’ಯಾಗಿ ಕಂಡುಬರುತ್ತಾರೆ. ಇಂತಹ ಜಾನಪದ ಸಿರಿಯ ಕಲಾ ಬದುಕಿನ ಸುತ್ತ ಅಂತರ್ಗತವಾಗಿರುವ ಸಂಕಥನವನ್ನು ಗುರುತಿಸುವ ಉದ್ಧೇಶವನ್ನು ಪ್ರಸ್ತುತ ಲೇಖನವು ಒಳಗೊಂಡಿದೆ.
ಜಗತ್ತಿನ ಪ್ರತಿಯೊಂದು ಕುಟುಂಬಗಳಲ್ಲಿ ತಂದೆ ತಾಯಂದಿರು ಕೂಡ ತಮ್ಮ ಮಕ್ಕಳು ಒಳ್ಳೆಯ ವಿದ್ಯಾವಂತರಾಗಬೇಕು, ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಿ ಗುರುತಿಸಿಕೊಳ್ಳಬೇಕು. ಯಾರ ಮುಂದೆಯೂ ತಗ್ಗಿ ನಡೆಯುವಂತಾಗಬಾರದು ಎಂದೆಲ್ಲ ಕನಸು ಕಟ್ಟಿರುತ್ತಾರೆ. ತಮ್ಮ ಮಕ್ಕಳು ಸಮಾಜ ಘಾತುಕರಿರಲಿ, ಬರೀ ಸುಳ್ಳು ಹೇಳಿದರೂ ತಂದೆ ತಾಯಿಗಳು ಸಹಿಸಿಕೊಳ್ಳುವುದಿಲ್ಲ. ವಾಸ್ತವ ಹೀಗಿರುವಾಗ ತಮ್ಮ ವಂಶವನ್ನು ಬೆಳಗಬೇಕಾದ ಗಂಡು ಮಗ ಹೆಣ್ಣಾಗಿ ವರ್ತಿಸುತ್ತಿದ್ದಾನೆ, ಇಲ್ಲವೇ ಹೆಣ್ಣಾಗಿ ಪರಿವರ್ತನೆಯಾಗುತ್ತಾನೆ ಎಂದರೆ ಯಾರು ತಾನೇ ಸಹಿಸಿಕೊಳ್ಳಲು ಸಾಧ್ಯ. ಅದೂ ಭಾರತದಂತಹ ಸಾಂಪ್ರದಾಯಿಕ ನಾಡಿನಲ್ಲಿ ಊಹಿಸಿಕೊಳ್ಳುವುದು ಕಷ್ಟವೆ. ಇಂತಹ ಸಂಕಷ್ಟವೊಂದು ಬಾಲ್ಯದ ದಿನಗಳಲ್ಲಿ ಮಂಜಮ್ಮ ಜೋಗತಿಯ ಕುಟುಂಬವನ್ನು ಪ್ರವೇಶಿಸಿತು. ಮಂಜಮ್ಮನ ದೈಹಿಕ ಕ್ರಿಯೆಯಲ್ಲಾದ ಈ ಬದಲಾವಣೆಯು ಜೈವಿಕ ಕ್ರಿಯೆಯಾಗಿರಬಹುದು. ಆದರೆ ಸಾಂಪ್ರದಾಯಿಕ ಸಮಾಜದಲ್ಲಿ ಇದನ್ನು ನೋಡುವ ದೃಷ್ಟಿಕೋನ ತುಂಬಾ ತಮ್ಮ ಕೆಳ ಮಟ್ಟದ್ದಾಗಿರುತ್ತದೆ. ಮಂಜುನಾಥ ತನ್ನ ಜೈವಿಕ ಒತ್ತಡಗಳಿಂದ ಮಂಜಮ್ಮನಾಗುವ ಸನ್ನವೇಶದಲ್ಲಿ ಅನುಭವಿಸಿದ ಯಾತನೆಗಳು ತುಂಬಾ ತ್ರಾಸದಾಯಕವಾಗಿದ್ದವು. ಇಲ್ಲಿ ಮಂಜಮ್ಮನನ್ನು ಕಾಡಿದ, ಸಂಕಷ್ಟಕ್ಕೆ ದೂಡಿದ ಘಟನೆಗಳಿಗೆ ಮಂಜಮ್ಮನ್ನ ಕುಟುಂಬ ನೇರ ಹೊಣೆಯಲ್ಲ. ಮಂಜುನಾಥ ತನ್ನ ಸಹಜ ಜೈವಿಕ ಸ್ವಭಾವಗಳಲ್ಲಿ ಹೆಣ್ಣಾಗಿ ಪರಿವರ್ತನೆಯಾಗುವುದನ್ನು ತಡೆಯಲು ಸಾಧ್ಯವಿಲ್ಲ ಎಂಬುದು ತನ್ನ ಕುಟುಂಬಕ್ಕೆ ಸಂಪೂರ್ಣವಾದ ಅರಿವಿದೆ. ಆದರೆ ತನ್ನ ಕುಟುಂಬದ ಸುತ್ತಮುತ್ತಲಿನ ಸಮಾಜದಲ್ಲಿ ಅಪಮಾನಕ್ಕೆ ಗುರಿಯಾಗಬೇಕಾದ ಒತ್ತಡಗಳಲ್ಲಿ ಉಂಟಾದ ಸಂಘರ್ಷವೇ ಮಂಜಮ್ಮನನ್ನು ಗಂಡಸ್ಸಾಗಿಯೇ ಉಳಿಯುವಂತೆ ಒತ್ತಾಯ ನಡೆದಿವೆ. ಈ ಒತ್ತಾಯದ ಭಾಗವಾದ ಹಿಂಸೆ ಮತ್ತು ಅವಮಾನಗಳು ಅವರ ಬದುಕಿನಲ್ಲಿ ಹಲವಾರು ತಲ್ಲಣಗಳನ್ನು ಮೂಡಿಸಿವೆ.
ಮಂಜಮ್ಮ ಜೋಗತಿಯು ಶ್ರೀ ಹನುಮಂತಯ್ಯ ಶೆಟ್ಟಿ, ಶ್ರೀಮತಿ ಜಯಲಕ್ಷ್ಮೀಯವ ಪುತ್ರನಾಗಿ ಬಳ್ಳಾರಿ ಜಿಲ್ಲೆಯ ಕಲ್ಲುಕಂಬ ಗ್ರಾಮದಲ್ಲಿ ಜನಿಸಿದವರು. ಇವರ ತಂದೆ ತಾಯಿಗೆ ಇಪ್ಪತ್ತೊಂದು ಜನ ಮಕ್ಕಳಲ್ಲಿ ಮಂಜಮ್ಮ ಜೋಗತಿಯು ಒಬ್ಬರಾಗಿದ್ದರು. ಈ ಇಪ್ಪತ್ತೊಂದು ಜನ ಮಕ್ಕಳಲ್ಲಿ ಉಳಿದುಕೊಂಡಿದ್ದು ಮಾತ್ರ ಇಬ್ಬರು ಗಂಡು ಮಕ್ಕಳು ಮತ್ತು ಇಬ್ಬರು ಹೆಣ್ಣು ಮಕ್ಕಳು ಮಾತ್ರ. ಈ ಇಬ್ಬರು ಗಂಡು ಸಂತಾನಗಳಲ್ಲಿ ಮಂಜಮ್ಮ (ಮಂಜುನಾಥ) ಒಬ್ಬರಾಗಿದ್ದರು. ಆದ್ದರಿಂದ ಇಲ್ಲಿ ಉಳಿದ ಎರಡು ಗಂಡು ಸಂತಾನಗಳಲ್ಲಿ ಒಬ್ಬರಾಗಿರುವ ಮಂಜುನಾಥ ಕೃಷ್ಣನಂತಾಗಿ ತಮ್ಮ ವಂಶವನ್ನು ಬೆಳಗುತ್ತಾನೆ ಎಂಬುದು ತಂದೆ ತಾಯಿಗಳ ಆದಮ್ಯ ಬಯಕೆಯಾಗಿತ್ತು. ಆದರೆ ವಿಧಿಯಾಟವೇ ಬೇರೆಯಾಗಿತ್ತು. ಕೃಷ್ಣನಂತಾಗಿ ವಂಶ ಬೆಳಗಬೇಕಾದ ಮಗ ಬೃಹನ್ನಳೆಯಂತಾದಾಗ ತಂದೆ ತಾಯಿಗಳಿಗೆ ತೀವ್ರತರವಾದ ಆಘಾತವನ್ನು ಮೂಡಿತ್ತು. ತಮ್ಮ ಬಾಲ್ಯದ ದಿನಗಳಿಂದಲೆ ಮಂಜಮ್ಮ ಗಂಡು ಹುಡುಗರ ಜೊತೆಯಲ್ಲಿ ಬೆರೆಯದೆ ಹೆಚ್ಚಾಗಿ ಹುಡುಗಿಯರೊಂದಿಗೆ ಬೆರೆಯುತ್ತಿದ್ದರು. ಹೆಂಗಸರು ಮಾಡುವ ಕೆಲಸಗಳಲ್ಲಿ ಹೆಚ್ಚಾಗಿ ತಮ್ಮನ್ನು ತೊಡಗಿಸಿಕೊಳ್ಳುತ್ತಿದ್ದರು. ಈ ಸಂದರ್ಭದಲ್ಲಿ ಸಮಾಜದ ಜನರಿಂದ ಹಲವಾರು ಕುಹಕದ ಮಾತುಗಳು ಹೊರಬಿದ್ದು, ಮಂಜಮ್ಮನ ಮನಸ್ಸನ್ನು ಘಾಸಿಗೊಳಿಸುತ್ತಿದ್ದವು. ಕೆಲವು ಹೆಣ್ಣು ಮಕ್ಕಳು “ಅವನ್ಯಾಕೆ ನಮ್ಮ ಜತೆ ಬರುತ್ತಾನೆ? ಈ ವಯಸ್ಸಿಗೆ ಅವನಿಗೇನು ಚಪಲ. ನೋಡೋಕೆ ಹೆಣ್ಣಿನಂಗಾಡ್ತಾನೆ, ಹೆಣ್ಣಿನ ಚಪಲ ಬ್ಯಾರೆ” ಎಂದೆಲ್ಲ ನೇರವಾಗಿ ನಿಂದಿಸುತ್ತಿದ್ದರು. ಆದರೆ ವಾಸ್ತವವಾಗಿ ಮಂಜುನಾಥನಲ್ಲಿ ಮಂಜವ್ವ ಒಡಮೂಡುತ್ತಿದ್ದಳು. ಆದರೆ ಈ ಸೂಕ್ಷ್ಮ ಅಳಲನ್ನು ಅರ್ಥೈಸುವ ಮನಸ್ಥಿತಿಯು ಯಾರಿಗೂ ಇರಲಿಲ್ಲ. ಇಂತಹ ಸಂದರ್ಭದಲ್ಲಿ ತನ್ನೆಲ್ಲ ನೋವುಗಳನ್ನು ತಾನೆ ನುಂಗಿಕೊಂಡು ಬದುಕಿನ ಹಾದಿಯನ್ನು ಕಂಡುಕೊಳ್ಳುವ ಸಾಹಸಮಯ ಬದುಕಿಗಾಗಿ ಮಂಜಮ್ಮ ತವಕಿಸಿದ್ದಾರೆ.
ಮಂಜಮ್ಮ ತನ್ನಲ್ಲಿ ಮೂಡಿದ ಹೆಣ್ತನವನ್ನು ಹೊತ್ತು ನಡೆಸಿದ ಹೋರಾಟದಲ್ಲಿ ಅವಮಾನಗಳೆ ಹೆಚ್ಚು. ಮಂಜಮ್ಮನ ದೇಹದಲ್ಲಿ ಒಡಮೂಡಿದ್ದು ಜೈವಿಕ ಕ್ರಿಯೆ. ಈ ಜೈವಿಕವಾದ ಬದಲಾವಣೆಯ ಒತ್ತಡದ ಭಾಗವಾಗಿ ಮಂಜಮ್ಮ ತಮ್ಮ ಹೆಣ್ತನವನ್ನು ಪ್ರದರ್ಶಿಸಿದರು. ಆದರೆ ಈ ಸಮಾಜದ ಕಣ್ಣಿಗೆ ಅದು ಸಹಜವಾದ ಜೈವಿಕ ಬದಲಾವಣೆಯಾಗಿರಲಿಲ್ಲ. ಅದನ್ನು ದೇವರಿಗೆ ಆರೋಪಿಸಲಾಯಿತು. ‘ಶೆಟ್ರು ಹುಡುಗ ಮಂಜುನಾಥನ ಮೈಯಾಗೆ ಹುಲಿಗೆಮ್ಮ ಬರಕತ್ಯಾಳೆ’ ಎಂದು ಆರೋಪಿಸಿದರು. ಆದರೆ ಇದರಿಂದ ಮಂಜಮ್ಮನ ಮೇಲೆ ಕುಟುಂಬದವರಿಂದ ಒತ್ತಡಗಳು ತೀವ್ರವಾದಾಗ ಮಂಜಮ್ಮ ಈ ಜೀವದ ಅಂತ್ಯಕ್ಕೆ ನಾಂದಿ ಹಾಡಲು ಮುಂದಾಗಿ ವಿಷ ಸೇವನೆ ಮಾಡಿದರು. ಆದರೆ ಅದೃಷ್ಟವಶತ್ ಇವರನ್ನು ಸಮಯಕ್ಕೆ ಸರಿಯಾಗಿ ಆಸ್ಪತ್ರೆಗೆ ಸೇರಿಸಿದ ಪರಿಣಾಮವಾಗಿ ಬದುಕುಳಿದರು. ದಾವಣಗೆರೆಯ ಸರ್ಕಾರಿ ಆಸ್ಪತ್ರೆಗೆ ಇವರನ್ನು ಸೇರಿಸಿದ ನಂತರ ಇವರ ಯೋಗಕ್ಷೇಮ ನೋಡಿಕೊಳ್ಳಲು ಯಾರು ಮುಂದೆ ಬರುವುದಿಲ್ಲ. ಇಂತಹ ಸಂದಿಗ್ಧ ಸಂದರ್ಭದಲ್ಲಿ ತನ್ನ ಜೀವನ ಹಾಗೂ ಹಸಿವನ್ನು ಪೂರೈಸಿಕೊಳ್ಳುವುದಕ್ಕಾಗಿ ಆಸ್ಪತ್ರೆಯ ರೋಗಿಗಳ ಎದುರು ದೇವಿಯ ಹಾಡು ನೃತ್ಯ ಮಾಡಿ ಜೀವನವನ್ನು ಸಾಗಿಸಿದರು. ನಂತರದಲ್ಲಿ ಸಂಪ್ರದಾಯದಂತೆ ದೇವಿಯ ದೀಕ್ಷೆ ತೆಗೆದುಕೊಂಡು ಮನೆಯಿಂದ ಹೊರ ನಡೆದ ಮಂಜವ್ವ ದಾವಣಗೆರೆಯಲ್ಲಿ ಪ್ರತ್ಯೇಕವಾದ ವಾಸ್ತವ್ಯ ಹೂಡಿದರು. ಹಲವು ಕಡೆ ನಡೆಯುವ ಸಂತೆ, ಜಾತ್ರೆಗಳಲ್ಲಿ ದೇವಿಯನ್ನು ಹೊತ್ತೊಯ್ದು ತನ್ನ ಜೀವನ ನಿರ್ವಹಣೆಗೆ ಮುಂದಾದರು.

ಮನೆಯಿಂದ ಹೊರಬಂದ ಮಂಜಮ್ಮ ತನ್ನ ಜೀವನವನ್ನು ತಾನು ಸಾಗಿಸಿಕೊಂಡು ಸ್ವಲ್ಪ ನೆಮ್ಮದಿಯನ್ನು ಕಂಡುಕೊಳ್ಳುವ ಸಂದರ್ಭದಲ್ಲಿ ಇವರ ಬದುಕನ್ನು ಘಾಸಿಗೊಳಿಸುವಂತಹ ಘಟನೆಯೊಂದು ನಡೆದು ಹೋಗಿತ್ತು. ತಾನು ಸಂಗ್ರಹಿಸಿದ ಹಣವನ್ನೆಲ್ಲ ಕೂಡಿಟ್ಟುಕೊಂಡು ಮನೆ ಬಾಡಿಗೆ ಕಟ್ಟಲು ಸಿದ್ಧ ಮಾಡಿಕೊಂಡು ಬರುವಾಗ ದಾವಣಗೆರೆಯ ಹೈಸ್ಕೂಲು ಮೈದಾನದಲ್ಲಿ ಇವರ ಮೇಲೆ ಪುಢಾರಿಗಳ ಗುಂಪೊಂದು ಅತ್ಯಾಚಾರಕ್ಕೆ ಮುಂದಾಗಿ, ಸೀರೆ ಉಟ್ಟ ಗಂಡು ದೇಹದ ಮೇಲೆ ದೌರ್ಜನ್ಯವೆಸಗಿ, ಇವರ ಬಳಿಯಿದ್ದ ಹಣವನ್ನೆಲ್ಲ ಕಸಿದುಕೊಳ್ಳುತ್ತಾರೆ. ಈ ಘಟನೆಯಿಂದ ಇವರಲ್ಲಿ ತೀವ್ರ ಮುಜುಗರ ಉಂಟಾಗುತ್ತದೆ. ಈ ಎಲ್ಲಾ ಘಟನೆಗಳನ್ನು ಮೆಟ್ಟಿನಿಂತ ಮಂಜಮ್ಮ ಸಾಧಿಸುವ ಛಲವೊತ್ತು ಮುನ್ನಡೆಯುತ್ತಾರೆ.
ಮಂಜಮ್ಮ ನಿರಂತರವಾಗಿ ತನ್ನ ಬದುಕಿನ ಹೋರಾಟವನ್ನು ಮುಂದುವರೆಸಿಕೊಂಡು ಬಂದವರು. ಇವರು ದೇವತೆಯ ದೀಕ್ಷೆ ಪಡೆದು ಮನೆಯಿಂದ ಹೊರಬಂದ ಸಂದರ್ಭದಲ್ಲಿ ಜೀವನವು ತುಂಬಾ ದುಸ್ತರವಾಗಿರುತ್ತದೆ. ಇಂತಹ ಸಂದರ್ಭದಲ್ಲಿ ಮಂಜಮ್ಮ ಆಯ್ದುಕೊಂಡಿದ್ದು ಸ್ವಾಭಿಮಾನದ ಬದುಕಿಗೆ ಪೂರಕವಾದ ಕಲೆಯನ್ನು. ಆರಂಭಿಕ ಹಂತದ ಈ ಕಲೆಗೆ ಪ್ರಚೋದಕ ಶಕ್ತಿಯಾದವರು ಬಸಪ್ಪನವರು. ಈ ಗುರುವಿನ ಆಶ್ರಯ ಪಡೆದು, ಅವರ ಶಿಷ್ಯಳಾಗಿ ಶಿರಸಾವಹಿಸಿ ದುಡಿದ ಮಂಜಮ್ಮ ನಂತರ ದಿನಗಳಲ್ಲಿ ಈ ಕಲೆಯೊಂದಿಗೆ ತನ್ನ ನಿರಂತದ ಬಂಧವನ್ನು ಕಾಯ್ದುಕೊಳ್ಳುತ್ತಾರೆ. ನಂತರದ ದಿನಗಳಲ್ಲಿ ಹಲವಾರು ಏಳುಬೀಳುಗಳನ್ನು ಅನುಭವಿಸಿದ ಮಂಜಮ್ಮ ಜೋಗತಿ ಮುಂದೆ ಕಾಳವ್ವ ಜೋಗತಿಯನ್ನು ಗುರುವಾಗಿ ಪಡೆಯುತ್ತಾಳೆ. ಈ ಕಾಳವ್ವ ಜೋಗತಿಯು ಮಂಜವ್ವನಿಗೆ ಕೇವಲ ಗುರುವಾಗಿರುವುದಿಲ್ಲ. ಅದರಾಚೆ ತಂದೆ ತಾಯಿ, ಬಂಧು ಬಳಗ ಮತ್ತು ಸರ್ವಸ್ವವಾಗಿಯೂ ಮಂಜವ್ವನಿಗೆ ಅಭಯ ನೀಡುತ್ತಾರೆ. ಕಾಳವ್ವ ಜೋಗತಿಯಿಂದ ಒಂದು ನೆಲೆಯನ್ನು ಕಂಡುಕೊಂಡ ಮಂಜವ್ವ ಜೋಗತಿಯು ತನ್ನ ಬದುಕಿಗಾಗಿ ಸ್ವಾರ್ಥವನ್ನು ಬೆಳೆಸಿಕೊಳ್ಳದೆ, ತನ್ನ ಗುರು ಕಾಳವ್ವ ಜೋಗತಿಯ ಮಾರ್ಗದರ್ಶನದಲ್ಲಿ ತನ್ನಂತೆ ಸಮಾಜ ಮತ್ತು ಕುಟುಂಬದಿಂದ ವಂಚಿತರಾದ ಹಲವಾರು ಅಬಲರಿಗೆ ಆಶ್ರಯ ನೀಡುವ ಮಹಾತಾಯಿಯಾಗಿ ದುಡಿಯುತ್ತಾರೆ.
ಮಂಜಮ್ಮನದು ಯಾವಾಗಲೂ ಒಂಟಿ ಬದುಕಲ್ಲ. ಮಂಜವ್ವ ಎಂಬುದೇ ಕೂಡು ಕುಟುಂಬದ ಮೂರ್ತ ಸ್ವರೂಪ. ಈ ಮಹಾತಾಯಿಯದು ಮಾತೃ ಹೃದಯ. ಕಷ್ಟ ಎಂದು ಬಂದವರಿಗೆ ಅಭಯ ನೀಡಿ ಆಶ್ರಯ ಕಲ್ಪಿಸುವುದೆ ಈ ತಾಯಿಯ ಗುಣವಾಗಿದೆ. ಮಂಜಮ್ಮ ತಾನು ಅನುಭವಿಸಿದ ಎಲ್ಲಾ ಸಂಕಷ್ಟಗಳನ್ನು ಎಂದು ಮರೆತವರಲ್ಲ. ಹೀಗಾಗಿ ಸಮಾಜದಲ್ಲಿ ಮಂಗಳಮುಖಿಯರು ಅನುಭವಿಸುತ್ತಿರುವ ಯಾತನೆಯ ಬಿಸಿಯನ್ನು ಸ್ವತಃ ಅನುಭವಿಸಿದವರಾಗಿದ್ದಾರೆ. ಹೀಗಾಗಿ ಯಾವುದೇ ಮಂಗಳಮುಖಿಯರು ಸಮಾಜದಿಂದ ತಿರಸ್ಕರಿಸಲ್ಪಟ್ಟಿದ್ದರು ಕೂಡ ಅಂತಹವರಿಗೆ ಆಶ್ರಯ ಕಲ್ಪಿಸಿಕೊಂಡು ಬಂದಿದ್ದಾರೆ. ಅಷ್ಟೇ ಅಲ್ಲದೆ ಹಲವಾರು ದೀನ ದಲಿತರಿಗೆ ಆಶ್ರಯಧಾತರಾಗಿ ಮಂಜಮ್ಮ ತಮ್ಮ ಸೇವೆಯನ್ನು ನೀಡುತ್ತಿದ್ದಾರೆ. ಮಂಜಮ್ಮ ಹೊಸಪೇಟೆ ತಾಲ್ಲೂಕಿನ ಮರಿಯಮ್ಮನಹಳ್ಳಿ ಗ್ರಾಮದಲ್ಲಿ ಪುಟ್ಟ ಮನೆಯೊಂದನ್ನು ನಿರ್ಮಿಸಿಕೊಂಡು ದಮನಿತರ ಸೇವೆಯನ್ನು ಮಾಡುವ ಕಾಯಕದಲ್ಲಿ ಸದಾ ತಲ್ಲಿನರಾಗಿದ್ದಾರೆ. ಇದು ಅವರ ಮಾತೃ ಮೌಲ್ಯವನ್ನು ಮತ್ತಷ್ಟು ಶ್ರೀಮಂತಗೊಳಿಸುತ್ತದೆ.
ಮಂಜಮ್ಮನದು ಬಹುಮುಖಿ ವ್ಯಕ್ತಿತ್ವ. ಯಾವುದೆ ಒಂದು ಕಾರ್ಯದಲ್ಲಿ ಮಾತ್ರ ತನ್ನನ್ನು ತೊಡಗಿಸಿಕೊಂಡು ಸುಮ್ಮನಿರುವವರಲ್ಲ. ಕಲಾ ಕ್ಷೇತ್ರಕ್ಕೆ ಬಂದರೆ ಅವರು ಒಬ್ಬ ಜೋಗತಿಯಾಗಿ, ದೇವತೆಯನ್ನು ಆರಾಧಿಸುವುದರೊಂದಿಗೆ, ಜೋಗತಿ ನೃತ್ಯದಲ್ಲಿ ತನ್ನದೆ ಆದ ಛಾಪು ಮೂಡಿಸಿದ ಕೀರ್ತಿ ಇವರದಾಗಿದೆ. ಜೋಗತಿ ನೃತ್ಯದಲ್ಲಿನ ಇವರ ಸಾಧನೆಯು ಇವರನ್ನು ಉತ್ತುಂಗ ಶಿಖರದತ್ತ ಕೊಂಡೊಯ್ದಿದೆ. ಈ ಜೋಗತಿ ಕಲೆಯು ಅವಸಾನದ ಅಂಚಿನಲ್ಲಿರುವಾಗ ಇದಕ್ಕೆ ಮರುಜೀವ ನೀಡಿದವರು ಮಂಜಮ್ಮ ಎಂದರೆ ತಪ್ಪಾಗಲಾರದು. ಈ ಜೋಗತಿ ಕಲೆಯನ್ನು ಪ್ರಚಾರಾತ್ಮಕವಾದ ನೆಲೆಯಲ್ಲಿ ಹಲವಾರ ಸಮಾಜಿಕ ಜಾಗೃತಿ ಕಾರ್ಯಕ್ರಮಗಳಲ್ಲಿ ಇದನ್ನು ಬಳಸಿಕೊಂಡ ಕೀರ್ತಿಗೆ ಇವರು ಭಾಜನರಾಗಿದ್ದಾರೆ. ಆಧುನಿಕ ಸಂಗೀತಾ ಮತ್ತು ನೃತ್ಯಗಳ ಪ್ರಭಾವದಿಂದ ಮೂಲೆಗುಂಪಾಗಿದ್ದ ಮತ್ತು ಯುವಜನತೆ ಮನದ ಮೂಸೆಯಿಂದ ಮರೆಯಾಗುತ್ತಿದ್ದ ಈ ಜೋಗತಿ ನೃತ್ಯ ಮತ್ತು ಕಲೆಯನ್ನು ರಾಷ್ಟ್ರೀಯ ಮಟ್ಟದ ಕಾರ್ಯಕ್ರಮಗಳ ಮೂಲಕ ಪ್ರದರ್ಶನ ನೀಡಿ, ಇದರ ಬಗೆಗೆ ಅರಿವು ಮೂಡಿಸುವಲ್ಲಿ ಮಂಜಮ್ಮ ಜೋಗತಿಯ ಕಾಣ್ಕೆಯು ಅಪಾರವಾಗಿದೆ. ಹಾಗೆಯೇ ಈ ಜೋಗತಿ ನೃತ್ಯವನ್ನು ಯುವ ಪೀಳಿಗೆಗೆ ಪರಿಚಯಿಸುವ ಮತ್ತು ಈ ಕಲೆಯನ್ನು ಮುಂದಿನ ಪೀಳಿಗೆಗೆ ವರ್ಗಾಯಿಸುವ ನೆಲೆಯಲ್ಲಿ ತಮ್ಮ ಹೋರಾಟವನ್ನು ಮಂಜಮ್ಮ ಮುಂದುವರೆಸಿಕೊಂಡು ಬಂದಿದ್ದಾರೆ.
ಮಂಜಮ್ಮನ ಕಲಾಸೇವೆ ಜೋಗತಿ ನೃತ್ಯಕ್ಕೆ ಮಾತ್ರ ಸೀಮಿತವಾದುದಲ್ಲ. ಅದರಾಚೆ ನಾಟಕ ಕ್ಷೇತ್ರಕ್ಕೂ ಲಗ್ಗೆ ಇಟ್ಟಿದೆ. ಆರಂಭಿಕ ಹಂತದಲ್ಲಿ ತಮ್ಮ ಹಸಿವನ್ನು ನೀಗಿಸಲು ದೇವಿಯ ಮಹಾತ್ಮೆಯನ್ನು ಪ್ರಧಾನವಾಗಿಟ್ಟುಕೊಂಡು ಬೀದಿ ನಾಟಕಗಳನ್ನು ಪ್ರದರ್ಶನ ಮಡುವ ಮೂಲಕ ಜೀವನವನ್ನು ಆರಂಭಿಸಿದ ಮಂಜಮ್ಮ ಜೋಗತಿಯು ರೇಣುಕೆಯ ಪಾತ್ರಕ್ಕೆ ಜೀವ ತುಂಬಿದರು. ಹೀಗೆ ಬೀದಿ ನಾಟಕಗಳ ಮೂಲಕ ಪ್ರದರ್ಶನವನ್ನು ಆರಂಭಿಸಿದ ಮಂಜಮ್ಮ ಸಾಮಾಜಿಕ ಅರಿವು ಮೂಡಿಸುವ ನೆಲೆಯಲ್ಲಿ ಏಡ್ಸ್, ಮಲೇರಿಯಾ, ಪೋಲಿಯೊ, ಸ್ವಚ್ಚತೆಯ ಅರಿವು ಮೂಡಿಸುವ ಹಲವಾರು ನಾಟಕಗಳನ್ನು ಪ್ರದರ್ಶನ ಮಾಡುತ್ತ ಬಂದಿದ್ದಾರೆ. ಹಾಗೆಯೇ ಮುಂದುವರೆದು ಹಲವಾರು ಪೌರಾಣಿಕ ನಾಟಕಗಳಲ್ಲಿ ಪ್ರಮುಖ ಪಾತ್ರಧಾರಿಯಾಗಿ ತನ್ನ ಸೇವೆಯನ್ನು ಮುಂದುವರೆಸಿಕೊಂಡು ಬಂದಿದ್ದಾರೆ. ದೃಢ ದೇಹಕಾಯರಾದ ಮಂಜಮ್ಮ ಭೀಮ, ದುರ್ಯೋಧನ, ಹಿರಣ್ಯಕಶ್ಯಪು ಪಾತ್ರಗಳ ಮೂಲಕ ಪುರುಷ ಪಾತ್ರಧಾರಿಗಳು ನಾಚುವಂತೆ ಪ್ರದರ್ಶನ ನೀಡುತ್ತ ಬಂದಿದ್ದಾರೆ. ಹೀಗೆ ಮುಂದುವರೆದ ಇವರ ಸಾಧನೆಯು ಇಂದಿಗೂ ತನ್ನ ಜೀವಂತಿಕೆಯನ್ನು ಕಾಯ್ದುಕೊಂಡಿದ್ದು, ಹಲವಾರು ನಾಟಕಗಳ ಪ್ರದರ್ಶನದ ಜೊತೆಗೆ ಯುವ ಸಮುದಾಯಕ್ಕೆ ನಾಟಕ ತರಬೇತಿ ನೀಡುವ ಜವಬ್ದಾರಿಯನ್ನು ಹೊತ್ತಿದ್ದಾರೆ. ಹೀಗಾಗಿ ಜೋಗತಿ ನೃತ್ಯ ಮತ್ತು ನಾಟಕ ಕ್ಷೇತ್ರಗಳಲ್ಲಿ ಮಂಜಮ್ಮನ ಸಾಧನೆಯು ಅಪಾರವಾದುದಾಗಿದೆ.
ಮಂಜಮ್ಮ ಗಂಡಾಗಿ ಹುಟ್ಟಿ ಹೆಣ್ಣಾಗಿ ಪರಿವರ್ತನೆಯಾದವರು. ಇದು ಅವರ ದೇಹದಲ್ಲಾದ ಜೈವಿಕ ಬದಲಾವಣೆ. ಆದರೆ ಈ ಜೈವಿಕ ಕ್ರಿಯೆಯಿಂದ ಉಂಟಾದ ಬದಲಾವಣೆಯ ಪರಿಣಾಮವಾಗಿ ಸಮಾಜದಲ್ಲಿ ಹಲವಾರು ಸಂಕಷ್ಟಗಳನ್ನು ಅನುಭವಿಸಿದರು. ಈ ಸಂಕಷ್ಟಗಳು ಅತಿಯಾದಾಗ ಸಾವಿಗೆ ಶರಣಾಗಲು ಮುಂದಾದರು. ಆದರೆ ಸಾವನ್ನು ಜಯಿಸಿದ ಮಂಜಮ್ಮ ಇಂದು ಸಾಧನೆಯ ಶಿಖರದಲ್ಲಿದ್ದಾರೆ. ಅಂದು ತಾವು ಹೆಣ್ಣಾಗಿ ಮನೆಯನ್ನು ತೊರೆದಾಗ ಒಂದು ಕಾಟನ್ ಸೀರೆ ಮಾತ್ರ ಇವರ ಬಳಿ ಇದ್ದಿದ್ದು. ಆದರೆ ಈ ಬಡತನಕ್ಕೆ ಅಂಜದ ಮಂಜಮ್ಮ ನಿಷ್ಠೆ ಮತ್ತು ಪ್ರಾಮಾಣಿಕತೆಯ ಮೂಲಕ ಇಂದು ಸಮಾಜದಲ್ಲಿ ಉತ್ತಮವಾದ ಸ್ಥಾನಮಾನವನ್ನು ಪಡೆದುಕೊಂಡಿದ್ದಾರೆ. ಅಂದು ಕೇವಲ ಒಂದು ಸೀರೆಯನ್ನುಟ್ಟು ಹೊರಬಂದ ಈ ಮಹಾತಾಯಿಯು ಇಚಿದು ತನ್ನಲ್ಲಿ ಹಲವಾರು ಸೀರೆಗಳು ಇರುವುದನ್ನು ನೆನೆದು ಸಂತೋಷ ಪಡುತ್ತಾರೆ. ಮಂಜಮ್ಮ ಆಸ್ತಿಪಾಸ್ತಿಯನ್ನು ಸಂಪಾದಿಸಿದವರಲ್ಲ. ದೀನ ದಲಿತರ ಹಾರೈಕೆ ಮತ್ತು ಅವರ ಪ್ರೀತಿಯನ್ನು ಸಂಪಾದಿಸುವುದೆ ಆಸ್ತಿಯೆಂದು ಭಾವಿಸಿದವರು. ಸೀರೆಯೊಂದಿಗಿನ ಇವರ ನಂಟು ಹೆಣ್ತನದ ಪ್ರತಿರೂಪವಾಗಿದೆ. ಇದರೊಂದಿಗಿನ ಅವರ ನಂಟು ಭಾವನಾತ್ಮಕ ಸ್ವರೂಪದಿಂದ ಕೂಡಿದೆ.
ಮಂಜಮ್ಮನವರ ಕಲಾಕ್ಷೇತ್ರದ ಸಾಧನೆಗಾಗಿ ಕರ್ನಾಟಕ ಸರ್ಕಾರವು ನೀಡುವ ಉನ್ನತ ಪುರಸ್ಕಾರವಾಗಿರುವ ‘ಕನ್ನಡ ರಾಜ್ಯೋತ್ಸವ’ ಪ್ರಶಸ್ತಿಯು ಇವರ ಮುಡಿಗೇರಿದೆ. ಹಾಗೆಯೇ ಇವರ ಕಲಾಸೇವೆ ಹಾಗೂ ಸಾಮಾಜಿಕ ಕಳಕಳಿಯನ್ನು ಗಮನಿಸಿದಂತಹ ಹಲವಾರು ಸಂಘ ಸಂಸ್ಥೆಗಳು ಹಲವಾರು ಪುರಸ್ಕಾರ ಹಾಗೂ ಸನ್ಮಾನದ ಮೂಲಕವಾಗಿ ಇವರನ್ನು ಗೌರವಿಸಿವೆ. ಸಾಧನೆಗೆ ಹೆಣ್ಣು ಗಂಡು, ಮೇಲು ಕೀಳು, ಶ್ರೇಷ್ಠ ಕನಿಷ್ಟವೆಂಬ ಯಾವುದೇ ಅಡ್ಡಿ ಆತಂಕಗಳಿಲ್ಲ. ಸಾಧಿಸುವ ಛಲವೊಂದಿದ್ದರೆ ಎಂಥ ಪರ್ವತವನ್ನು ಶ್ರಮದ ಮೂಲಕ ಹೇರಿ ಸಾಧಿಸಬಹುದು ಎಂಬುದನ್ನು ಮಂಜಮ್ಮ ಸಾಧಿಸಿ ತೋರಿಸಿದ್ದಾರೆ. ಮಂಜಮ್ಮನದು ಸದಾ ತುಡಿಯುವ ಮಾತೃ ಹೃದಯ. ಈ ಮಹಾತಾಯಿಯ ಮಾತೃ ಹೃದಯವು ಕೇವಲ ದಮನಿತ ಸಮುದಾಯದ ಮಾನವ ಲೋಕಕ್ಕೆ ಮಾತ್ರ ಮಿಡಿಯುತ್ತ ಬಂದಿಲ್ಲ. ಅದರಾಚೆಗಿನ ಪ್ರಾಣಿ ಪಕ್ಷಿ ಸಂಕುಲಕ್ಕೂ ತನ್ನ ಅಂತಃಕರಣದ ತುಡಿತವನ್ನು ವ್ಯಕ್ತಪಡಿಸಿಕೊಂಡು ಬಂದಿದೆ. ಇದಕ್ಕೆ ಸಾಕ್ಷಿಯಾಗಿ ಈ ತಾಯಿಯು ತನ್ನ ಕುಟೀರದೊಳಗೆ ವಿವಿಧ ಪ್ರಾಣಿ ಸಂಕುಲಕ್ಕೆ ಆಶ್ರಯ ನೀಡಿ, ತನ್ನ ಮಕ್ಕಳಂತೆ ಪ್ರೀತಿಯುಣಿಸುತ್ತಾ ಬಂದು, ಅವುಗಳ ನೋವಿಗೆ ಮಿಡಿದಿದ್ದಾರೆ. ಮಂಜಮ್ಮ ಎಂಬ ಈ ಮಹಾತಾಯಿಯು ತನ್ನಂತೆ ಹಲವಾರು ಮಂಗಳಮುಖಿಯರಿಗೆ ಆಶ್ರಯ ನೀಡುವುದರ ಜೊತೆಗೆ, ಆಶ್ರಯ ಕಳೆದುಕೊಂಡ ವೃದ್ಧರು ಹಾಗೂ ತಂದೆ ತಾಯಿಗಳ ಪ್ರೀತಿಯಿಂದ ವಂಚಿತರಾದ ಅನಾಥ ಮಕ್ಕಳಿಗೆ ಆಶ್ರಯಧಾತೆಯಾಗಿ ತನ್ನ ಮಾತೃ ಶ್ರೀಮಂತಿಕೆಯನ್ನು ಹಾಗೂ ತಾಯ್ತನವನ್ನು ಹೆಚ್ಚಿಸಿಕೊಂಡಿದ್ದಾರೆ. ಇದು ಮಂಜಮ್ಮ ಜೋಗತಿಯ ಬದುಕಿನ ಕಿರು ಪರಿಚಯ ಮಾತ್ರವಾಗಿದೆ. ಇವರ ಸಾಧನೆಯು ನಿಸ್ವಾರ್ಥದಿಂದ ಕೂಡಿದ್ದು, ಮಾತು ಕೃತಿಯಾಗಿ, ಕಾರ್ಯವಾಗಿ ಹೊರಹೊಮ್ಮಿದೆ. ಆದ ಕಾರಣ ಇವರನ್ನು, ಇವರ ಕಾರ್ಯವನ್ನು ಎಷ್ಟು ವರ್ಣಿಸಿದರೂ ಅತಿಶಯೋಕ್ತಿಯಾಗಲಾರದು. ಮಂಜಮ್ಮ ಜೋಗತಿಯೆಂಬ ಈ ಮಹಾತಾಯಿಯು ಕಲಾಕ್ಷೇತ್ರಕ್ಕೆ ಇನ್ನಷ್ಟು ಸೇವೆಯನ್ನು ನೀಡಲಿ, ಇವರ ಸಾಮಾಜಿಕ ಕಳಕಳಿ ಸದಾ ಹೀಗೆ ಮುಂದುವರೆಯುವಂತಹ ಆರೋಗ್ಯವನ್ನು ದೇವರು ಕರಣಿಸಲಿ ಎಂಬುದೆ ನಮ್ಮ ಹಾರೈಕೆ.
ಸುದ್ದಿಗಾಗಿ ಸುದ್ದಿದಿನ.ಕಾಂ ವಾಟ್ಸಾಪ್ ನಂಬರ್ | 9986715401

ಅಂಕಣ
ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ
ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ ಕಂಠಸಿರಿಯಿಂದ ಆರು ದಶಕಗಳಿಗೂ ಹೆಚ್ಚು ಕಾಲ ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯವನ್ನು ಗೆದ್ದಿದ್ದ ಈ ಮಹಾನ್ ಹಿನ್ನೆಲೆ ಗಾಯಕಿ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನವು ಕೇವಲ ಒಬ್ಬ ಗಾಯಕಿಯ ಅಗಲಿಕೆಯಲ್ಲ; ಭಾರತೀಯ ಸಂಗೀತ ಪರಂಪರೆಯ ಒಂದು ಮಹತ್ತರ ಯುಗದ ಅಂತ್ಯವಾಗಿದೆ.
ಸಂಗೀತವು ಭಾಷೆಯ ಎಲ್ಲೆಗಳನ್ನು ಮೀರಿ ಹೃದಯವನ್ನು ತಲುಪುವ ಮಾಧ್ಯಮ. ಆ ಸತ್ಯವನ್ನು ತಮ್ಮ ಗಾಯನದ ಮೂಲಕ ಸಾಬೀತುಪಡಿಸಿದ ಕಲಾವಿದೆ ಎಸ್. ಜಾನಕಿ. ಅವರು ಹಾಡಿದ ಸಾವಿರಾರು ಗೀತೆಗಳು ಇಂದಿಗೂ ಪ್ರೀತಿ, ವಿರಹ, ಭಕ್ತಿ, ಮಾತೃತ್ವ, ಸಂತೋಷ ಮತ್ತು ಬದುಕಿನ ಸೂಕ್ಷ್ಮ ಭಾವನೆಗಳಿಗೆ ಧ್ವನಿಯಾಗಿವೆ. ಅವರ ಕಂಠ ಕೇಳಿದ ಕ್ಷಣವೇ ಹಾಡಿನ ಪಾತ್ರ ಜೀವಂತವಾಗಿ ಕಣ್ಣೆದುರು ಮೂಡುತ್ತಿತ್ತು. ಅದೇ ಅವರ ಗಾಯನದ ಮಹತ್ವ.
ಸಾಮಾನ್ಯ ಕುಟುಂಬದಿಂದ ಸಂಗೀತ ಸಾಮ್ರಾಜ್ಯದವರೆಗೆ
1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ಸಮೀಪ ಜನಿಸಿದ ಜಾನಕಿ, ಬಾಲ್ಯದಿಂದಲೇ ಸಂಗೀತದತ್ತ ಅತೀವ ಆಸಕ್ತಿ ಹೊಂದಿದ್ದರು. ಮನೆಯಲ್ಲಿದ್ದ ಸಂಗೀತದ ವಾತಾವರಣವೇ ಅವರ ಪ್ರತಿಭೆಗೆ ಮೊದಲ ಪ್ರೇರಣೆ. ಸಂಪ್ರದಾಯಬದ್ಧ ಸಂಗೀತ ಶಿಕ್ಷಣ ಸೀಮಿತವಾಗಿದ್ದರೂ, ದೇವರು ನೀಡಿದ ಸಹಜ ಕಂಠವೇ ಅವರನ್ನು ಅಪರೂಪದ ಗಾಯಕಿಯನ್ನಾಗಿ ರೂಪಿಸಿತು.
ಕುಟುಂಬದ ಬೆಂಬಲದೊಂದಿಗೆ ಅವರು ಆಗಿನ ಮದ್ರಾಸಿಗೆ ತೆರಳಿ ಹಿನ್ನೆಲೆ ಗಾಯನದಲ್ಲಿ ಅವಕಾಶ ಹುಡುಕಿದರು. ಆರಂಭದ ದಿನಗಳು ಸುಲಭವಾಗಿರಲಿಲ್ಲ. ಆದರೆ ಪ್ರತಿಭೆ, ಶ್ರಮ ಮತ್ತು ಸಂಗೀತದ ಮೇಲಿನ ಅಚಲ ನಿಷ್ಠೆ ಅವರನ್ನು ಬೇಗನೇ ಸಂಗೀತ ನಿರ್ದೇಶಕರ ಗಮನಕ್ಕೆ ತಂದಿತು. 1957ರಲ್ಲಿ ಆರಂಭವಾದ ಅವರ ಗಾಯನಯಾನ, ನಂತರ ಭಾರತದ ಸಂಗೀತ ಇತಿಹಾಸದಲ್ಲೇ ಅತ್ಯಂತ ದೀರ್ಘ ಹಾಗೂ ಯಶಸ್ವಿ ಪಯಣಗಳಲ್ಲಿ ಒಂದಾಗಿ ಬೆಳೆಯಿತು.
ಭಾಷೆಗಳ ಗಡಿಗಳನ್ನು ಮೀರಿ ಮೊಳಗಿದ ಧ್ವನಿ
ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ, ಒಡಿಯಾ, ತುಳು, ಕೊಂಕಣಿ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ಅವರು ಸಾವಿರಾರು ಹಾಡುಗಳನ್ನು ಹಾಡಿದರು. ವಿವಿಧ ಮೂಲಗಳ ಪ್ರಕಾರ ಅವರು 40 ಸಾವಿರಕ್ಕೂ ಅಧಿಕ ಗೀತೆಗಳಿಗೆ ಧ್ವನಿಯಾಗಿದ್ದಾರೆ.
ಪ್ರತಿ ಭಾಷೆಯ ಉಚ್ಚಾರಣೆಯನ್ನು ಅತ್ಯಂತ ಶ್ರದ್ಧೆಯಿಂದ ಕಲಿತು, ಆ ಭಾಷೆಯವರೇ ಹಾಡಿದಂತೆ ಹಾಡುವುದು ಅವರ ವಿಶೇಷತೆ. ಅದಕ್ಕಾಗಿಯೇ ಅವರು ಹಾಡಿದ ಗೀತೆಗಳನ್ನು ಯಾವ ರಾಜ್ಯದ ಜನರೂ ತಮ್ಮದೇ ಭಾಷೆಯ ಹಾಡುಗಳೆಂದು ಪ್ರೀತಿಸಿದರು. ಒಬ್ಬ ಗಾಯಕಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ.
ಕನ್ನಡಿಗರ ಮನದ ಜಾನಕಿ
ಕರ್ನಾಟಕದ ಸಂಗೀತಾಸಕ್ತರಿಗೆ ಎಸ್. ಜಾನಕಿ ಎಂದರೆ ವಿಶೇಷವಾದ ಭಾವನಾತ್ಮಕ ಬಂಧ. ಕನ್ನಡ ಚಿತ್ರರಂಗದ ಸುವರ್ಣಯುಗದ ನೂರಾರು ಅಮರಗೀತೆಗಳಿಗೆ ಅವರು ಜೀವ ತುಂಬಿದ್ದಾರೆ.
ಡಾ. ರಾಜ್ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್, ಅನಂತ್ ನಾಗ್, ರಮೇಶ್ ಅರವಿಂದ್ ಸೇರಿದಂತೆ ಹಲವು ತಲೆಮಾರಿನ ನಟ–ನಟಿಯರ ಭಾವನೆಗಳಿಗೆ ಅವರ ಧ್ವನಿಯೇ ಆತ್ಮವಾಗಿತ್ತು.
ವಿಜಯಭಾಸ್ಕರ್, ಜಿ.ಕೆ. ವೆಂಕಟೇಶ್, ರಾಜನ್–ನಾಗೇಂದ್ರ, ಉಪೇಂದ್ರ ಕುಮಾರ್, ಹಂಸಲೇಖ ಸೇರಿದಂತೆ ಕನ್ನಡದ ಶ್ರೇಷ್ಠ ಸಂಗೀತ ನಿರ್ದೇಶಕರೊಂದಿಗೆ ಅವರು ನೀಡಿದ ಹಾಡುಗಳು ಇಂದಿಗೂ ಸಂಗೀತಾಸಕ್ತರ ತುಟಿಗಳಲ್ಲಿ ಜೀವಂತವಾಗಿವೆ.
ಪ್ರೇಮಗೀತೆಗಳಾಗಲಿ, ಭಕ್ತಿಗೀತೆಗಳಾಗಲಿ, ಜಾನಪದ ಸೊಗಡಿನ ಹಾಡುಗಳಾಗಲಿ ಅಥವಾ ವಿರಹದ ಮೌನವನ್ನು ಹೇಳುವ ಮಧುರಗೀತೆಗಳಾಗಲಿ—ಜಾನಕಿ ಅವರ ಧ್ವನಿ ಪ್ರತಿಯೊಂದು ಭಾವಕ್ಕೂ ಹೊಸ ಅರ್ಥ ನೀಡುತ್ತಿತ್ತು.
ಇಳಯರಾಜಾ–ಜಾನಕಿ: ಸಂಗೀತದ ಅದ್ಭುತ ಜೋಡಿ
ತಮಿಳು ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕ ಇಳಯರಾಜಾ ಮತ್ತು ಎಸ್. ಜಾನಕಿ ಅವರ ಸಂಗಮ ಭಾರತೀಯ ಚಿತ್ರಸಂಗೀತದ ಅತ್ಯಂತ ಯಶಸ್ವಿ ಜೋಡಿಗಳಲ್ಲಿ ಒಂದು.
ಇಳಯರಾಜಾ ಅವರ ಸಂಗೀತದ ಸೂಕ್ಷ್ಮ ಭಾವಗಳನ್ನು ಜಾನಕಿ ತಮ್ಮ ಧ್ವನಿಯಲ್ಲಿ ಜೀವಂತಗೊಳಿಸುತ್ತಿದ್ದರು. ಈ ಜೋಡಿಯ ಅನೇಕ ಗೀತೆಗಳು ಇಂದಿಗೂ ದಕ್ಷಿಣ ಭಾರತದ ಸಂಗೀತಾಭಿಮಾನಿಗಳ ನಿತ್ಯ ಸಂಗಾತಿಗಳಾಗಿವೆ.
ಅದೇ ರೀತಿ ಎಂ.ಎಸ್. ವಿಶ್ವನಾಥನ್, ಕೆ.ವಿ. ಮಹಾದೇವನ್, ಚಕ್ರವರ್ತಿ, ಹಂಸಲೇಖ, ರಾಜನ್–ನಾಗೇಂದ್ರ, ವಿಜಯಭಾಸ್ಕರ್ ಮೊದಲಾದ ದಿಗ್ಗಜರ ಸಂಗೀತಕ್ಕೂ ಅವರು ವಿಶಿಷ್ಟ ಕಂಠಸಿರಿ ನೀಡಿದ್ದಾರೆ.
ಧ್ವನಿಯೊಳಗಿದ್ದ ಸಾವಿರ ರೂಪಗಳು
ಎಸ್. ಜಾನಕಿ ಅವರ ಗಾಯನದ ಅತ್ಯಂತ ದೊಡ್ಡ ವೈಶಿಷ್ಟ್ಯವೆಂದರೆ ಧ್ವನಿಯ ರೂಪಾಂತರ. ಒಂದು ಹಾಡಿನಲ್ಲಿ ಮಗು ಮಾತನಾಡಿದಂತೆ ಹಾಡಬಲ್ಲರು; ಮತ್ತೊಂದು ಹಾಡಿನಲ್ಲಿ ವಯಸ್ಸಾದ ಮಹಿಳೆಯ ಭಾವನೆ ಮೂಡಿಸುತ್ತಿದ್ದರು. ಕೆಲವೊಮ್ಮೆ ಗ್ರಾಮೀಣ ಹುಡುಗಿಯ ಮುಗ್ಧತೆ, ಮತ್ತೊಮ್ಮೆ ನಗರ ಮಹಿಳೆಯ ಆತ್ಮವಿಶ್ವಾಸ, ಇನ್ನೊಮ್ಮೆ ತಾಯಿಯ ಮಮತೆ, ಮತ್ತೆ ಭಕ್ತೆಯ ಪ್ರಾರ್ಥನೆ—ಪ್ರತಿ ಭಾವಕ್ಕೂ ಬೇರೆ ಧ್ವನಿಯನ್ನು ನೀಡುವ ಸಾಮರ್ಥ್ಯ ಅವರಿಗೆ ಮಾತ್ರ ಸಾಧ್ಯವಾಗಿತ್ತು. ಅವರ ಧ್ವನಿ ಕೇವಲ ಸಂಗೀತವಲ್ಲ; ಅದು ಅಭಿನಯವೂ ಆಗಿತ್ತು.
ಶ್ರಮ, ಶಿಸ್ತು ಮತ್ತು ಪರಿಪೂರ್ಣತೆಯ ಪ್ರತೀಕ
ಒಂದು ಹಾಡನ್ನು ಹಾಡುವ ಮೊದಲು ಅದರ ಸಾಹಿತ್ಯವನ್ನು ಸಂಪೂರ್ಣ ಅರ್ಥೈಸಿಕೊಳ್ಳುವುದು ಅವರ ಅಭ್ಯಾಸ. ಉಚ್ಚಾರಣೆಯಲ್ಲಿ ಯಾವುದೇ ತಪ್ಪು ಆಗಬಾರದು ಎಂಬ ಕಾರಣಕ್ಕೆ ಹೊಸ ಭಾಷೆಗಳನ್ನು ಸಹ ಕಲಿಯುತ್ತಿದ್ದರು.
ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಸಮಯಪಾಲನೆ, ಶಿಸ್ತು ಹಾಗೂ ಸಂಗೀತದ ಮೇಲಿನ ಅಪಾರ ಗೌರವದಿಂದ ಅವರು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.
ಸಂಗೀತ ನಿರ್ದೇಶಕರು ಅನೇಕ ಬಾರಿ ಹೇಳಿದ್ದೇನಂದರೆ, ಜಾನಕಿ ಹಾಡನ್ನು ಒಮ್ಮೆ ಅರ್ಥ ಮಾಡಿಕೊಂಡರೆ ಅದನ್ನು ಮತ್ತೆ ವಿವರಿಸುವ ಅಗತ್ಯವೇ ಇರಲಿಲ್ಲ.
ಪ್ರಶಸ್ತಿಗಳಿಗಿಂತ ದೊಡ್ಡದು ಜನರ ಪ್ರೀತಿ
ಎಸ್. ಜಾನಕಿ ಅವರು ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ವಿವಿಧ ರಾಜ್ಯ ಸರ್ಕಾರಗಳಿಂದ ಮೂವತ್ತಕ್ಕೂ ಅಧಿಕ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿಗಳು ಅವರಿಗೆ ಸಂದಿವೆ. ಆದರೆ ಅವರು ಎಂದಿಗೂ ಪ್ರಶಸ್ತಿಗಳಿಗಾಗಿ ಹಾಡಲಿಲ್ಲ. ಸಂಗೀತವೇ ಅವರ ಧ್ಯಾನ, ಗಾಯನವೇ ಅವರ ಪೂಜೆ.
ಪದ್ಮಭೂಷಣ ಪ್ರಶಸ್ತಿಯನ್ನು ಅವರು ವಿನಯಪೂರ್ವಕವಾಗಿ ನಿರಾಕರಿಸಿದ್ದು ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು. ತಮ್ಮ ಸಾಧನೆಗೆ ತಡವಾಗಿ ಗೌರವ ನೀಡಲಾಗಿದೆ ಎಂಬ ಭಾವನೆಯನ್ನು ಅವರು ಅತ್ಯಂತ ಗೌರವಯುತವಾಗಿ ವ್ಯಕ್ತಪಡಿಸಿದ್ದರು.
ಎಸ್.ಪಿ.ಬಿ.–ಜಾನಕಿ: ಮರೆಯಲಾಗದ ಸಂಗೀತಯಾನ
ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಎಸ್. ಜಾನಕಿ ಅವರ ಜೋಡಿ ಭಾರತೀಯ ಚಿತ್ರಸಂಗೀತದ ಅತ್ಯಂತ ಜನಪ್ರಿಯ ಗಾಯನ ಜೋಡಿಗಳಲ್ಲಿ ಒಂದು.
ಅವರಿಬ್ಬರು ಹಾಡಿದ ಸಾವಿರಾರು ಯುಗಲಗೀತೆಗಳು ಇಂದಿಗೂ ರೇಡಿಯೋಗಳಲ್ಲಿ, ಸಂಗೀತ ಕಾರ್ಯಕ್ರಮಗಳಲ್ಲಿ ಮತ್ತು ಅಭಿಮಾನಿಗಳ ನೆನಪುಗಳಲ್ಲಿ ಸದಾ ಕೇಳಿಸುತ್ತಿವೆ.ಇವರ ಗಾಯನದಲ್ಲಿ ಸ್ಪರ್ಧೆಯಿರಲಿಲ್ಲ; ಪರಸ್ಪರ ಪೂರಕವಾದ ಸಂಗೀತ ಮಾತ್ರ ಇತ್ತು.
ಸರಳತೆಯೇ ಅವರ ಅಲಂಕಾರ
ಅಸಂಖ್ಯಾತ ಪ್ರಶಸ್ತಿಗಳು, ಲಕ್ಷಾಂತರ ಅಭಿಮಾನಿಗಳು, ದೇಶವ್ಯಾಪಿ ಖ್ಯಾತಿ—ಇವೆಲ್ಲ ಇದ್ದರೂ ಎಸ್. ಜಾನಕಿ ಅತ್ಯಂತ ಸರಳ ಜೀವನ ನಡೆಸಿದರು.ವೇದಿಕೆಯಲ್ಲಿ ಎಂದಿಗೂ ಆಡಂಬರ ತೋರಲಿಲ್ಲ. ಸಂದರ್ಶನಗಳಲ್ಲಿಯೂ ತಮ್ಮ ಸಾಧನೆಗಿಂತ ಸಂಗೀತದ ಮಹತ್ವದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರು.ಹೊಸ ಗಾಯಕರಿಗೆ ಪ್ರೋತ್ಸಾಹ ನೀಡುವುದು, ಅವರನ್ನು ಮೆಚ್ಚುವುದು ಮತ್ತು ಸಂಗೀತವನ್ನು ಗೌರವಿಸುವಂತೆ ಸಲಹೆ ನೀಡುವುದು ಅವರ ಸ್ವಭಾವವಾಗಿತ್ತು.
ಹೊಸ ತಲೆಮಾರಿನಲ್ಲೂ ಜೀವಂತ ಧ್ವನಿ
ಡಿಜಿಟಲ್ ಸಂಗೀತದ ಯುಗದಲ್ಲಿಯೂ ಎಸ್. ಜಾನಕಿ ಅವರ ಹಾಡುಗಳ ಜನಪ್ರಿಯತೆ ಕಡಿಮೆಯಾಗಲಿಲ್ಲ. ಯೂಟ್ಯೂಬ್, ಸಂಗೀತ ಆ್ಯಪ್ಗಳು, ರಿಯಾಲಿಟಿ ಶೋಗಳು, ಸಾಮಾಜಿಕ ಜಾಲತಾಣಗಳು—ಎಲ್ಲೆಡೆ ಅವರ ಹಾಡುಗಳು ಹೊಸ ತಲೆಮಾರಿನ ಕಿವಿಗಳಿಗೆ ತಲುಪುತ್ತಲೇ ಇವೆ. ಇಂದಿನ ಅನೇಕ ಯುವ ಗಾಯಕ–ಗಾಯಕಿಯರು ತಮ್ಮ ಸಂಗೀತಯಾನದ ಪ್ರೇರಣೆಯಾಗಿ ಜಾನಕಿ ಅವರನ್ನು ಉಲ್ಲೇಖಿಸುತ್ತಾರೆ.
ಸಂಗೀತ ಲೋಕದ ಕಂಬನಿ
ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ದೇಶದಾದ್ಯಂತ ಸಂಗೀತ ಲೋಕದಲ್ಲಿ ಶೋಕದ ಛಾಯೆ ಆವರಿಸಿತು. ಚಿತ್ರರಂಗದ ಗಣ್ಯರು, ಸಂಗೀತ ನಿರ್ದೇಶಕರು, ಗಾಯಕ–ಗಾಯಕಿಯರು, ಸಾಹಿತ್ಯಿಕರು, ರಾಜಕೀಯ ನಾಯಕರು ಹಾಗೂ ಲಕ್ಷಾಂತರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಭಾವಪೂರ್ಣ ನಮನ ಸಲ್ಲಿಸಿದರು.
“ಒಂದು ಯುಗ ಮುಗಿಯಿತು”, “ಗಾನಕೋಗಿಲೆಯ ಧ್ವನಿ ಎಂದೆಂದಿಗೂ ಜೀವಂತ”, “ನಮ್ಮ ಜೀವನದ ನೆನಪುಗಳಿಗೆ ಹಿನ್ನೆಲೆ ಸಂಗೀತ ನೀಡಿದ ಧ್ವನಿ” ಎಂಬ ಮಾತುಗಳು ಎಲ್ಲೆಡೆ ಕೇಳಿಬಂದವು.
ಕನ್ನಡಿಗರ ನೆನಪಿನಲ್ಲಿ ಎಂದೆಂದಿಗೂ
ಕರ್ನಾಟಕದ ಮನೆಮನೆಗಳಲ್ಲೂ ಎಸ್. ಜಾನಕಿ ಅವರ ಹಾಡುಗಳು ಇಂದಿಗೂ ಬೆಳಗಿನ ಭಕ್ತಿಗೀತೆಗಳಾಗಿ, ಪ್ರೇಮಗೀತೆಗಳಾಗಿ, ಹಬ್ಬದ ಸಂಭ್ರಮವಾಗಿ, ಬದುಕಿನ ನೆನಪುಗಳಾಗಿ ಮೊಳಗುತ್ತಿವೆ.
ಅವರ ಧ್ವನಿ ಅನೇಕ ಕುಟುಂಬಗಳ ಭಾವನೆಗಳ ಒಂದು ಭಾಗವಾಗಿದೆ. ತಾಯಿಯ ನೆನಪಿನಲ್ಲಿ, ಪ್ರೀತಿಯ ನೆನಪಿನಲ್ಲಿ, ಬಾಲ್ಯದ ನೆನಪಿನಲ್ಲಿ, ಹಬ್ಬದ ಸಂಭ್ರಮದಲ್ಲಿ—ಎಲ್ಲೆಲ್ಲೂ ಜಾನಕಿ ಅವರ ಹಾಡುಗಳಿವೆ.
ಸ್ವರ ಮೌನವಾದರೂ…
ಕಾಲ ಬದಲಾಗಬಹುದು. ಸಂಗೀತದ ಶೈಲಿಗಳು ಬದಲಾಗಬಹುದು. ಹೊಸ ತಂತ್ರಜ್ಞಾನಗಳು ಬರಬಹುದು. ಆದರೆ ಭಾವನೆಗೆ ಜೀವ ತುಂಬುವ ಧ್ವನಿಗಳು ಅಪರೂಪ.
ಎಸ್. ಜಾನಕಿ ಅಂತಹ ಅಪರೂಪದ ಧ್ವನಿ. ಅವರ ದೇಹ ನಮ್ಮೊಂದಿಗಿಲ್ಲ. ಆದರೆ ಅವರು ಹಾಡಿದ ಪ್ರತಿಯೊಂದು ಗೀತೆ ಮುಂದಿನ ಹಲವು ತಲೆಮಾರುಗಳಿಗೂ ಬದುಕಿನ ಸಂಗಾತಿಯಾಗಿರುತ್ತದೆ. ಸಂಗೀತ ಇತಿಹಾಸವನ್ನು ಬರೆಯುವಾಗ ಅವರ ಹೆಸರನ್ನು ಬಿಟ್ಟು ಮುಂದೆ ಸಾಗುವುದು ಅಸಾಧ್ಯ. ಮರಣವು ಒಬ್ಬ ವ್ಯಕ್ತಿಯನ್ನು ಮಾತ್ರ ಕಸಿದುಕೊಳ್ಳಬಹುದು; ಅವರು ಸೃಷ್ಟಿಸಿದ ಕಲೆಯನ್ನು ಅಲ್ಲ.
ಎಸ್. ಜಾನಕಿ ಅವರ ಸ್ವರ ಇಂದು ಮೌನವಾಗಿದೆ. ಆದರೆ ಅವರು ಹಾಡಿದ ಸಾವಿರಾರು ಗೀತೆಗಳು ಭಾರತೀಯ ಸಂಗೀತಾಕಾಶದಲ್ಲಿ ಶಾಶ್ವತವಾಗಿ ಪ್ರತಿಧ್ವನಿಸುತ್ತಲೇ ಇರುತ್ತವೆ.
ಅವರ ಕಂಠಸಿರಿ ಕಾಲವನ್ನು ಮೀರಿದೆ.
ಅವರ ಸಂಗೀತ ತಲೆಮಾರುಗಳನ್ನು ಮೀರಿದೆ.
ಅವರ ನೆನಪು ಎಂದಿಗೂ ಅಳಿಯದು.
ಸ್ವರ ಮೌನವಾಗಿದೆ… ಆದರೆ ಸಂಗೀತ ಅಮರವಾಗಿದೆ. ಅದೇ ಎಸ್. ಜಾನಕಿ ಅವರ ಶಾಶ್ವತ ಪರಂಪರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ
~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ
ಅಂಬೇಡ್ಕರ್ ಅವರು ಭಾರತದ ಚರಿತ್ರೆಗಳ ರಚನೆಗೆ ಪ್ರಾಯೋಗಿಕ ಉಪಕರಣಗಳನ್ನು (ಎಂಪರಿಕಲ್ ಟೂಲ್ಸ್) ಬಳಸಿರುತ್ತಾರೆ. ಆದರೆ ಈ ಎಲ್ಲ ಉಪಕರಣಗಳು ಕೇವಲ ಚರಿತ್ರೆಯ ರಚನೆಗೆ ಮಾತ್ರ ಕಾರಣವಾಗದೆ, ಸಮೂಹಗಳ ಸಾಮಾಜಿಕ-ರಾಜಕೀಯ ಸಮಾನತೆ, ಸ್ವಾಯತ್ತತೆಯನ್ನೂ ಕಲ್ಪಿಸುವುದಕ್ಕೂ ಬದ್ಧವಾಗಿರುತ್ತವೆ. ಆರ್ಥಿಕತೆಯ ನಿಲುವುಗಳ ಮೂಲಕ ಭಾರತದ ಚರಿತ್ರೆಯನ್ನು ವ್ಯಾಖ್ಯಾನಿಸುವ ಕ್ರಮಗಳನ್ನು ಅಂಬೇಡ್ಕರ್ ಅವರು ಅತ್ಯಂತ ಕಟುವಾಗಿಯೇ ವಿಮರ್ಶಿಸುತ್ತಾರೆ.
ಸಮಾಜವಾದಿಗಳು ಮತ್ತು ಮಾರ್ಕ್ಸ್ವಾದಿಗಳು ಆರ್ಥಿಕತೆಯ ನೆಲೆಯಿಂದ ಭಾರತದಲ್ಲಿ ಚರಿತ್ರೆಗಳನ್ನು ನಿರ್ವಚಿಸುವ ಪ್ರಯತ್ನವನ್ನು ಮಾಡಿರುತ್ತಾರೆ ಎನ್ನುವುದನ್ನು ಇಲ್ಲಿ ಗಮನಿಸಬಹುದು. ಭಾರತದ ಚರಿತ್ರೆಗಳಲ್ಲಿ ದಾಖಲಾಗಿರುವ ಯಾವುದೇ ರಾಜಕೀಯ ಕ್ರಾಂತಿ/ಹೋರಾಟಗಳು ಯಾವಾಗಲೂ ಸಾಮಾಜಿಕ-ಧಾರ್ಮಿಕ ಕ್ರಾಂತಿಗಳಿಂದ ಮಾತ್ರ ಕೂಡಿರುವುದನ್ನೂ ಅಂಬೇಡ್ಕರ್ ಅವರು ಇಲ್ಲಿ ಗುರುತಿಸುತ್ತಾರೆ. ಭಾರತದಲ್ಲಿ ಅಷ್ಟೆಯಲ್ಲ, ಅಮೆರಿಕ, ಯುರೋಪ್, ಅರೇಬಿಯಾ ದೇಶಗಳಲ್ಲಿಯೂ ಇದೇ ಬಗೆಯ ಚರಿತ್ರೆಯ ನಿರ್ಮಾಣವು ನಡೆದಿರುವುದನ್ನು ನೋಡುತ್ತೇವೆ. ಮತ್ತು ಶಿವಾಜಿ, ಚಂದ್ರಗುಪ್ತ ಮೌರ್ಯ, ಸಿಖ್ ರಾಜ್ಯಗಳ ರಾಜರುಗಳಿಂದ ಕೈಗೊಳ್ಳಲಾದ ರಾಜಕೀಯ ಕ್ರಾಂತಿಗಳು, ಬುದ್ಧ, ಗುರು ನಾನಕ್ ಹಾಗೂ ಇತರ ಸಾಧು ಸಂತರ ಸಾಮಾಜಿಕ, ಧಾರ್ಮಿಕ ಚಳವಳಿಗಳ ಮೂಲಕ ಕಂಡಿರುತ್ತೇವೆ.
ಆದರೆ ಪರಿಣಾಮಗಳಲ್ಲಿ ಅಗಾಧವಾದ ವ್ಯತ್ಯಾಸಗಳನ್ನೂ ನಾವು ಇವತ್ತು ಕಾಣುತ್ತೇವೆ ಹಾಗೂ ಭಾರತದ ಚರಿತ್ರೆಗಳನ್ನು ಕುರಿತು ಬ್ರಿಟಿಶರು ತಾಳಿರುವ ಧೋರಣೆಗಳು ಅತ್ಯಂತ ದೋಷಪೂರಿತ ನೆಲೆಗಳಿಂದ ಕೂಡಿದ್ದವು ಎಂಬುದನ್ನು ಅಂಬೇಡ್ಕರ್ ಅವರು ಅತ್ಯಂತ ಬಲವಾಗಿ ನಂಬಿದ್ದರು. ಮತ್ತು ಅವುಗಳನ್ನು ಬಿಡಿಸಿ ತೋರಿಸುವುದಕ್ಕೆ ಬೇಕಾದ ಪರಿಕರಗಳನ್ನೂ ತಮ್ಮ ಅಧ್ಯಯನಗಳ ಮೂಲಕ ರೂಪಿಸಿರುತ್ತಾರೆ.
ಭಿನ್ನ ಸಂವೇದನೆಯ ಮೂಲಕ ಭಾರತವನ್ನು ಗ್ರಹಿಸಿದ ಅಂಬೇಡ್ಕರ್ ಚಿಂತನೆಗಳು ಹಾಗೂ ಸಾಮಾಜಿಕವಾಗಿ ಅತ್ಯಂತ ಸೂಕ್ಷ್ಮ ನಿಲುವುಗಳಾಗಿ ಯಾವತ್ತಿಗೂ ಚರ್ಚೆಗೆ ಒಳಪಡುತ್ತಿರುವ ‘ಅಲ್ಪಸಂಖ್ಯಾತರು’ ‘ಲಿಂಗ’ ಹಾಗೂ ‘ಜಾತಿ’ಗಳ ನಡುವೆ ಒಂದು ಬಗೆಯ ತಾರ್ಕಿಕ ನಂಟನ್ನು ಏರ್ಪಡಿಸಬಹುದು. ರಾಷ್ಟ್ರೀಯತೆಯ ಜೊತೆಗೆ ಅಲ್ಪಸಂಖ್ಯಾತರು, ಲಿಂಗ ಹಾಗೂ ಜಾತಿಯ ವಿನ್ಯಾಸಗಳನ್ನು ಇಟ್ಟು ನೋಡಿದರೆ, ರಾಷ್ಟ್ರೀಯತೆ ಎನ್ನುವುದು ಕೇವಲ ಏಕಾಕೃತಿಯ ನೆಲೆಯನ್ನಾಗಿ ಬಿಂಬಿಸಲಾಗುತ್ತದೆ. ಇಂತಹ ಏಕಾಕೃತಿ ನಿಲುವುಗಳನ್ನು ಭಗ್ನ ಮಾಡುವ ಅತ್ಯಂತ ಪ್ರಖರವಾದ ಚಿಂತನೆಗಳನ್ನು, ಅಲ್ಪಸಂಖ್ಯಾತ, ಲಿಂಗ, ಜಾತಿ ಮತ್ತು ಧರ್ಮಗಳ ವಿನ್ಯಾಸಗಳನ್ನು ನೆಲೆಯಾಗಿಸಿಕೊಂಡು ಅಂಬೇಡ್ಕರ್ ಅವರು ಚಿಂತಿಸಿರುತ್ತಾರೆ. ಹಾಗೂ ಈ ಚಿಂತನೆಗಳ ಮುಖೇನವೇ ಸಾಂಸ್ಕೃತಿಕ-ಚಾರಿತ್ರಿಕ ಬಹುಳತೆಯನ್ನು ಕಂಡರಿಸುವ ದಾರಿಗಳನ್ನೂ ಅವರ ಚಿಂತನೆಗಳಲ್ಲಿ ಕಾಣಬಹುದಾಗಿದೆ.
ಅಂದರೆ ಅಂಬೇಡ್ಕರ್ ಅವರ ಸೈದ್ಧಾಂತಿಕ ತಿಳಿವಿನ ಚೌಕಟ್ಟನ್ನು ಅರಿಯಬೇಕೆಂದರೆ, ಅವರು ಫ್ರೆಂಚ್ ಕ್ರಾಂತಿಯಿಂದ ಎರವಲು ಪಡೆದಿರುವ ಸಾಮಾಜಿಕ-ರಾಜಕೀಯ ‘ತ್ರಿಕೂಟ’ (ಟ್ರಿನಿಟಿ) ಪರಿಕಲ್ಪನೆಗಳನ್ನು ಇಲ್ಲಿ ನಾವು ಪರಿಗಣನೆಗೆ ತೆಗೆದುಕೊಳ್ಳುವ ಅಗತ್ಯವಿದೆ. ‘ಸ್ವಾತಂತ್ರ್ಯ, ಸಮಾನತೆ ಹಾಗೂ ಸಹೋದರತ್ವ’ ಎಂಬುದಾಗಿ ಈ ತ್ರಿಕೂಟ ಪರಿಕಲ್ಪನೆಗಳನ್ನು ಗುರುತಿಸಬಹುದು.
ಫ್ರೆಂಚ್ ಕ್ರಾಂತಿಯ ನಿಲುವುಗಳನ್ನು ಕುರುಡಾಗಿ ಅನುಕರಿಸುವುದಾಗಲೀ ಇಲ್ಲವೇ ಆ ಕ್ರಾಂತಿಯ ನಿಲುವುಗಳನ್ನು ಯಥಾವತ್ತಾಗಿ ಪಾಲಿಸುವುದಾಗಲೀ ಅಂಬೇಡ್ಕರ್ ಅವರ ಉದ್ದೇಶವಾಗಿರಲಿಲ್ಲ. ಆದರೆ ಈ ಕ್ರಾಂತಿಯಿಂದ ಪ್ರೇರಣೆಯನ್ನು ಮಾತ್ರ ಪಡೆದುಕೊಂಡಿರುತ್ತಾರೆ. ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳನ್ನು ಮರುಪರೀಕ್ಷಿಸುವುದು ಅಷ್ಟೆಯಲ್ಲದೆ ಅವುಗಳನ್ನು ಮರು ವಿನ್ಯಾಸಗೊಳಿಸಿರುವುದನ್ನೂ ಇಲ್ಲಿ ನೋಡಬಹುದು. ಅಂದರೆ, ಫ್ರೆಂಚ್ ಕ್ರಾಂತಿಯ ಸನ್ನಿವೇಶಕ್ಕಿಂತ ಮಿಗಿಲಾದ ಸಾಮಾಜಿಕ-ಸಾಂಸ್ಕೃತಿಕ ಆಯಾಮ ಮತ್ತು ಅರ್ಥಗಳನ್ನು ಅಂಬೇಡ್ಕರ್ ಅವರು ಈ ಪರಿಕಲ್ಪನೆಗಳಿಗೆ ಕೊಟ್ಟಿರುತ್ತಾರೆ.
ಜಾತಿಕೇಂದ್ರಿತವಾದ ಭಾರತ ದೇಶವು ವರ್ಗಕೇಂದ್ರಿತವಾದ ಫ್ರೆಂಚ್ ದೇಶಕ್ಕಿಂತ ಸಹಜವಾಗಿಯೇ ಭಿನ್ನವಾಗಿದೆ. ಈ ಸಾಮಾಜಿಕ ವಿನ್ಯಾಸಕ್ಕೆ ಅನುಗುಣವಾಗಿಯೇ ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳ ತಾತ್ವಿಕತೆಯನ್ನು ರೂಪಿಸಿರುತ್ತಾರೆ. ಸಮೂಹಗಳ ಒಳ್ಳೆಯ ಬದುಕಿಗೆ ಈ ತ್ರಿಕೂಟಗಳು ಅತ್ಯಂತ ಅವಶ್ಯವೆಂಬುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು (ರೊಡ್ರಿಗಸ್, 2002). ಚರಿತ್ರೆಯ ನಿರ್ಮಾಣದಲ್ಲಿ ಹಾಗೂ ಸಾಮಾಜಿಕ ಬದುಕುಗಳನ್ನು ಕಟ್ಟಿಕೊಳ್ಳುವಲ್ಲಿ ಈ ಸಮಾನತೆ, ಸ್ವಾತಂತ್ರ್ಯ ಹಾಗೂ ಸಹೋದರತ್ವವು ಎಷ್ಟೊಂದು ಮಹತ್ವದ ಪಾತ್ರವನ್ನು ವಹಿಸಬಲ್ಲವು ಎನ್ನುವುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು.
ಅಂಬೇಡ್ಕರ್ ಅವರು ಗಾಂಧಿ ಮತ್ತು ಕಾಂಗ್ರೇಸ್ ಸಂಘಟನೆಯನ್ನು ಕುರಿತು ‘ವ್ಹಾಟ್ ಗಾಂಧಿ ಆ್ಯಂಡ್ ಕಾಂಗ್ರೇಸ್ ಹ್ಯಾವ್ ಡನ್ ಟು ದ ಅನ್ಟಚೇಬಲ್ಸ್’ ಎಂಬ ಬರಹದಲ್ಲಿ ಸಮೂಹಗಳ ಏಳ್ಗೆಯ ನೆಲೆಯಿಂದ ವಿಶ್ಲೇಷಣೆ ಮಾಡಿರುತ್ತಾರೆ. ಅಂದರೆ ಸ್ವಾತಂತ್ರ್ಯ, ಸಮಾನತೆ ಮತ್ತು ಸಹೋದರತ್ವದಂತಹ ತ್ರಿಕೂಟ ಕಲ್ಪನೆಗಳು ಸಮೂಹಗಳ ಅಸ್ತಿತ್ವ, ಅಸ್ಮಿತೆ ಹಾಗೂ ಪ್ರಜ್ಞೆಯನ್ನು ಕುರಿತು ಮಾತ್ನಾಡಿದರೆ, ಕಾಂಗ್ರೆಸ್ ಸಂಘಟನೆಯು ರಾಷ್ಟ್ರೀಯತೆಯ ಕಲ್ಪನೆಯ ಬಗೆಗೆ ಮಾತ್ರ ಹೆಚ್ಚು ಕಾಳಜಿಯನ್ನು ವಹಿಸಿರುವುದನ್ನು ಇಲ್ಲಿ ನೋಡುತ್ತೇವೆ. ಆದರೆ ಗಾಂಧೀಜಿಯವರು ಸಾಂಪ್ರದಾಯಿಕ ರಾಷ್ಟ್ರೀಯತೆಯನ್ನು ಕುರಿತು ಯೋಚಿಸಿದರೆ, ನೆಹರೂ ಅವರು ಸಮಾಜವಾದದ ನೆಲೆಯಿಂದ ರಾಷ್ಟ್ರೀಯತೆಯ ಪ್ರಜ್ಞೆಯನ್ನು ರೂಪಿಸುವ ತುಡಿತವನ್ನು ಹೊಂದಿದ್ದರು. ಒಟ್ಟಾರೆ ರಾಷ್ಟ್ರೀಯತೆ ಬಗೆಗಿನ ನಿಲುವುಗಳಲ್ಲಿ ಬಹುಸಮಾಜಗಳು ಎದುರಿಸುವ ಸಾಮಾಜಿಕ-ರಾಜಕೀಯ ಬಿಕ್ಕಟ್ಟುಗಳು ಮಹತ್ವವನ್ನು ಪಡೆಯದೆ, ಕೇವಲ ರಾಷ್ಟ್ರ ಮತ್ತು ರಾಷ್ಟ್ರೀಯತೆಯ ಕುರಿತಾದ ಮೌಲ್ಯಗಳು ಮಾತ್ರ ಮುಂಚೂಣಿಗೆ ಬರುತ್ತವೆ.
ಹಾಗಾಗಿ ಭಾರತದ ಚರಿತ್ರೆಗಳಲ್ಲಿ ರಾಷ್ಟ್ರ, ರಾಷ್ಟ್ರ ಪ್ರಭುತ್ವ ಹಾಗೂ ರಾಷ್ಟ್ರೀಯತೆಗಳ ಮಹತ್ವ ಮತ್ತು ಹಿರಿಮೆಯ ಬಗೆಗಿರುವ ಕಾಳಜಿಗಳು, ಸಾಮಾಜಿಕ ಚರಿತ್ರೆಯನ್ನು ಬಿಂಬಿಸುವಲ್ಲಿ ಗೈರು ಆಗಿರುತ್ತವೆ. ಅಂಬೇಡ್ಕರ್ ಅವರು ಇಂತಹ ಚಾರಿತ್ರಿಕ ಲೋಪಗಳನ್ನು ಗುರುತಿಸುವ ಜೊತೆಗೆ, ರಾಜಕೀಯ ಪ್ರೇರಿತವಾದ ಚರಿತ್ರೆಗಳಿಗಿಂತ, ಸಾಮಾಜಿಕ ನೆಲೆಗಳಿಂದ ಚರಿತ್ರೆಯನ್ನು ಬರೆಯುವುದು ಎಷ್ಟೊಂದು ಮಹತ್ವದ ಕೆಲಸವೆಂಬುದನ್ನೂ ಮನಗಾಣಿಸಿದ್ದಾರೆ. ಸಾಮಾಜಿಕ ಚರಿತ್ರೆಗಳನ್ನು ಕಡೆಗಣಿಸಿ ರಾಷ್ಟ್ರೀಯತೆಯ ಕಲ್ಪನೆಯನ್ನು ಊಹಿಸುವುದು ಕೂಡ ದುಸ್ತರದ ಸಂಗತಿಯೆಂಬುದನ್ನು ಅಂಬೇಡ್ಕರ್ ಅವರು ಚಿಂತನೆಗಳು ನಮಗೆ ಮನವರಿಕೆ ಮಾಡುತ್ತವೆ. ಈ ಕಾರಣಗಳಿಂದ ‘ಚರಿತ್ರೆಯನ್ನು ಮರೆತವರು ಚರಿತ್ರೆಯನ್ನು ಸೃಷ್ಟಿಸಲಾರರು’ ಎಂಬ ನಿಲುವನ್ನು ಅತ್ಯಂತ ಬಲವಾಗಿಯೇ ಅಂಬೇಡ್ಕರ್ ಅವರು ನಂಬಿರುತ್ತಾರೆ ಎಂಬುದು ಅತ್ಯಂತ ಗಮನಾರ್ಹ ಸಂಗತಿ.
ಚರಿತ್ರೆ ಎಂಬುದು ಒಂದು ಕನಸಾಗಲೀ ಇಲ್ಲವೇ ಭ್ರಮೆಯಾಗಲೀ ಅಲ್ಲ ಹಾಗೂ ಚರಿತ್ರೆಯೆಂಬುದು ಒಂದು ನಿರ್ವಾತವೂ ಅಲ್ಲ ಮತ್ತು ತೆರಪುಗಳನ್ನು ತುಂಬುವ ಪ್ರಕ್ರಿಯೆಯೂ ಅಲ್ಲ. ಬದಲಾಗಿ ಅದೊಂದು ಸಾಮಾಜಿಕ-ಸಾಂಸ್ಕೃತಿಕ-ರಾಜಕೀಯ ಗ್ರಹಿಕೆ ಮತ್ತು ಜ್ಞಾನಶಿಸ್ತು ಆಗಿರುತ್ತದೆ. ಜ್ಞಾನಶಿಸ್ತುಗಳು ಮತ್ತು ಗ್ರಹಿಕೆಗಳು ಸಮೂಹ ಕೇಂದ್ರಿತವಾಗಿರುಬೇಕೆ ಹೊರತು ಕೇವಲ ರಾಜಕೀಯ-ಸಾಮಾಜಿಕ ಪ್ರಾಬಲ್ಯವನ್ನು ಹೊಂದಿರುವ ವ್ಯಕ್ತಿಗಳ ಇಲ್ಲವೇ ಆಳುವ ವರ್ಗಗಳನ್ನು ಮಾತ್ರ ಪ್ರತಿನಿಧಿಸುವ ವಿನ್ಯಾಸಗಳಾಗಿ ಇವುಗಳು ಇರಲಾರವು. ಚರಿತ್ರೆಯೂ ಒಂದು ಜ್ಞಾನಶಿಸ್ತೇ ಆಗಿರುವುದರಿಂದ, ಇದು ಬಹುಸಮೂಹಗಳನ್ನು ಪ್ರತಿನಿಧಿಸುವ ವಿನ್ಯಾಸವಾಗಬೇಕು ಎಂಬ ಅಚಲವಾದ ನಿಲುವನ್ನು ಅಂಬೇಡ್ಕರ್ ಅವರು ತಾಳಿದ್ದರು. ಯಾವುದೇ ಗ್ರಹಿಕೆಯು ಸಮೂಹ ಕೇಂದ್ರಿತವಾಗಿರುತ್ತದೆ ಎನ್ನುವ ನಿಲುವಿನಲ್ಲಿ ಅಂಬೇಡ್ಕರ್ ಅವರಿಗೆ ತಾತ್ವಿಕ ಹಾಗೂ ವೈಯಕ್ತಿಕವಾಗಿ ಅಪಾರವಾದ ನಂಬಿಕೆಯಿತ್ತು.
ಹಾಗಾಗಿ ಅಂಬೇಡ್ಕರ್ ಅವರು ನಿನ್ನೆಗಳನ್ನು ಕುರಿತಾದ ತಾತ್ವಿಕ ಪ್ರಶ್ನೆಗಳನ್ನು ಮೈಮೇಲೆ ಎಳೆದುಕೊಂಡು, ಅವುಗಳಿಗೆ ಉತ್ತರಗಳನ್ನು ಹುಡುಕುವ ಪ್ರಯತ್ನವನ್ನು ಮಾಡಿರುತ್ತಾರೆ. ನಿನ್ನೆಗಳು ತಮ್ಮ ಹಕ್ಕುಗಳೆಂದು ಯಾರು ವಾದಿಸುವವರೋ ಅವರೆಲ್ಲರಿಗೂ, ವರ್ತಮಾನದಲ್ಲಿ ಉಂಟಾಗಿರುವ ಬಿಕ್ಕಟ್ಟುಗಳಿಗೆ ಈ ನಿನ್ನೆಗಳು ಹೇಗೆ ಹೊಣೆಯಾಗಿವೆ ಎಂಬ ದಿಟವನ್ನು ಅರಿಯುವುದಕ್ಕೆ ಬೇಕಾದ ವಿಶ್ಲೇಷಣೆಗಳನ್ನು ಇವರು ಮಾಡಿರುತ್ತಾರೆ. ಅಂಬೇಡ್ಕರ್ ಅವರ ಈ ಹಾದಿಯು ಎಲ್ಲರಿಗೂ ಒಪ್ಪಿತವಾಗುವ ಸತ್ಯವನ್ನು ಹೇಳುವುದಲ್ಲ. ಬದಲಾಗಿ, ಎಲ್ಲ ಸಮೂಹಗಳ ಇವತ್ತಿನ ಬದುಕಿಗೆ ಅಗತ್ಯವಾಗಿರುವ ಹಾದಿಗಳನ್ನು ರೂಪಿಸುವುದಾಗಿತ್ತು. ಆದ್ದರಿಂದ, ಸದ್ಯದ ಚರಿತ್ರೆ, ಸಾಹಿತ್ಯ, ಸಂಸ್ಕೃತಿ, ಆರ್ಥಿಕತೆ ಹಾಗೂ ರಾಜಕಾರಣವನ್ನು ವಿಶ್ಲೇಷಿಸುವುದಕ್ಕೆ ಅಂಬೇಡ್ಕರ್ ಅವರು ರೂಪಿಸಿದ ಈ ತಾತ್ವಿಕ ವಿನ್ಯಾಸಗಳು ಅತ್ಯಂತ ಸಮರ್ಪಕವಾಗಿರುತ್ತವೆ. ಇವರ ಈ ತಾತ್ವಿಕ ವಿನ್ಯಾಸಗಳಲ್ಲಿ ಅನ್ಯ ಪ್ರಭಾವಕ್ಕಿಂತ ಪ್ರೇರಣೆಗಳನ್ನು ಮಾತ್ರ ನಾವು ಕಾಣುತ್ತೇವೆ. ಆದ್ದರಿಂದ ಅಂಬೇಡ್ಕರ್ ಅವರು ರೂಪಿಸಿದ ಮರುರಚನೆಯ (ರೀಕನ್ಸ್ಟ್ರಕ್ಸನ್) ಮಾದರಿಗಳು ಕೇವಲ ತೆರಪುಗಳನ್ನು ತುಂಬುವ ರಚನೆಗಳಾಗದೆ, ವರ್ತಮಾನದ ಬಿಕ್ಕಟ್ಟುಗಳಿಗೆ ಇವುಗಳು ಹೇಗೆ ಕಾರಣವಾಗಿರುತ್ತವೆ ಹಾಗೂ ಇವುಗಳಿಗೆ ಉತ್ತರಗಳನ್ನು ಕಂಡುಕೊಳ್ಳುವ ಬಗೆಗಳಾವುವು ಎಂಬೆಲ್ಲ ಸಂಗತಿಗಳನ್ನು ಕುರಿತು ಅತ್ಯಂತ ವಸ್ತುನಿಷ್ಠ ವಿಶ್ಲೇಷಣೆಗಳನ್ನು ತಮ್ಮ ಬರಹಗಳಲ್ಲಿ ಮಾಡಿರುತ್ತಾರೆ.
ಅಂಬೇಡ್ಕರ್ ಅವರಿಗಿಂತ ಮೊದಲು ಇಂತಹದೊಂದು ನೋಟಕ್ರಮಕ್ಕೆ ಚಾಲನೆಯನ್ನು ಕೊಟ್ಟವರು ಜ್ಯೋತಿರಾವ್ ಫುಲೆಯವರು. ಆದರೆ ಇವರಿಬ್ಬರ ತಿಳಿವಳಿಕೆಗಳನ್ನು ಹೋಲಿಸಿ ನೋಡುವ ಉದ್ದೇಶಕ್ಕಿಂತ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳು ಬೆಳೆಯುವುದಕ್ಕೆ ಬೇಕಾಗಿರುವ ಚಾರಿತ್ರಿಕ ಒತ್ತಡಗಳು ಹೇಗಿರುತ್ತವೆ ಎಂಬ ದಿಟವನ್ನು ಅರಿಯುವುದಕ್ಕೆ, ಫುಲೆಯವರ ಚಿಂತನೆಗಳನ್ನು ಇಲ್ಲಿ ಚರ್ಚಿಸಲಾಗಿದೆ. ಹಾಗೂ ಭಾರತದ ಸನ್ನಿವೇಶದಲ್ಲಿ ಚರಿತ್ರೆ ಕಥನಶಾಸ್ತ್ರಗಳ ವಿಭಿನ್ನ ಸ್ವರೂಪವನ್ನೂ ಈ ಮೂಲಕ ಅರಿಯಬಹುದಾಗಿದೆ. ಜ್ಞಾನಶಿಸ್ತುಗಳನ್ನು ರೂಪಿಸುವ ಪ್ರಕ್ರಿಯೆಯ ಭಾಗವಾಗಿ ಈ ಹಾದಿಯನ್ನು ಕರ್ನಾಟಕದ ವಿದ್ವತ್ ಲೋಕದಲ್ಲಿ ಇಡೀಯಾಗಿ ಅನುಸರಿಸುವುದನ್ನು ನಾನು ಕಾಣಲಾರೆ.
ಅಂದರೆ ಯಾರೂ ಈ ಹಾದಿಯನ್ನು ತುಳಿಯುತ್ತಿಲ್ಲವೆಂದು ಅರ್ಥವಲ್ಲ. ಬದಲಾಗಿ ಇದುವೇ ಮುಖ್ಯಧಾರೆ ಚಿಂತನೆಯ ಕ್ರಮವಾಗಿ ಭಾರತ ಇಲ್ಲವೇ ಕರ್ನಾಟಕದಲ್ಲಿ ಇನ್ನೂ ಬೆಳೆದಿಲ್ಲವೆಂದರ್ಥ. ಆದರೆ ಅಂಬೇಡ್ಕರ್ ಚಿಂತನೆಯ ಮಾದರಿಯೆಂಬುದನ್ನು ಕೇವಲ ಪರ್ಯಾಯ ಆಲೋಚನೆಯ ಕ್ರಮವನ್ನಾಗಿ ಮಾತ್ರ ನೋಡಲಾಗಿದೆ. ಈ ನಿಲುವು ಸರಿಯಲ್ಲ. ಏಕೆಂದರೆ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳೇ ನಮ್ಮ ಮುಖ್ಯಧಾರೆಯ ಆಲೋಚನೆಯ ಕ್ರಮಗಳಾಗಬೇಕಾದ ತುರ್ತು ಇದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days agoಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ
-
ದಿನದ ಸುದ್ದಿ4 days agoನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ
-
ದಿನದ ಸುದ್ದಿ3 days agoಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ





