ದಿನದ ಸುದ್ದಿ
ಯಜಮಾನಿಕೆ ಮತ್ತು ಯಜಮಾನರ ಅಧಿಪತ್ಯ
- ಪ್ರತಾಪ್ ಭಾನು ಮೆಹ್ತಾ ( ಇಂಡಿಯನ್ ಎಕ್ಸ್ ಪ್ರೆಸ್ 18-11-20), ಅನುವಾದ : ನಾ ದಿವಾಕರ
ರಾಜ್ಯಶಾಸ್ತ್ರದ ಸಾಹಿತ್ಯದಲ್ಲಿ ಸಾಮಾನ್ಯವಾಗಿ ಪ್ರಜಾಪ್ರಭುತ್ವದ ಬರ್ಬರತೆ ಎಂಬ ಪದವನ್ನು ಬಳಸಲಾಗುತ್ತದೆ. ಈ ಪ್ರಜಾಪ್ರಭುತ್ವದ ಬರ್ಬರತೆಯನ್ನು ನ್ಯಾಯಿಕ ಬರ್ಬರತೆಯು ಕಾಪಾಡಿಕೊಂಡುಬರುತ್ತದೆ. ಬರ್ಬರತೆಗೆ ಹಲವಾರು ಆಯಾಮಗಳಿವೆ. ಮೊದಲನೆಯದಾಗಿ ನ್ಯಾಯಾಂಗದಲ್ಲಿ ನಿರ್ಧಾರಗಳನ್ನು ಕೈಗೊಳ್ಳುವಾಗ, ತೀರ್ಪು ನೀಡುವಾಗ ನಿರಂಕುಶತೆ ಮೇಲುಗೈ ಸಾಧಿಸುತ್ತದೆ.
ಕಾನೂನುಗಳನ್ನು ಅನ್ವಯಿಸುವ ಸಂದರ್ಭದಲ್ಲಿ ನ್ಯಾಯಾಧೀಶರ ವ್ಯಕ್ತಿಗತ ನಿಲುವುಗಳನ್ನು ಅನುಸರಿಸಲಾಗುತ್ತದೆ. ಹಾಗಾಗಿ ಸಾಂವಿಧಾನಿಕ ನಿಯಮಗಳು, ಕಾಯ್ದೆ ಕಾನೂನುಗಳು ಅರ್ಥಹೀನವಾಗಿಬಿಡುತ್ತವೆ. ಕಾನೂನು ಎನ್ನುವುದು ದಬ್ಬಾಳಿಕೆಯ ಅಸ್ತ್ರವಾಗುತ್ತದೆ. ಕಾನೂನು ದಬ್ಬಾಳಿಕೆಗೆ ಕನಿಷ್ಟಪಕ್ಷ ಸಹಾಯಕವಾಗಿರುತ್ತದೆ.
ಹೀಗಾದಾಗ ನಾಗರಿಕ ಹಕ್ಕುಗಳ ಮತ್ತು ಪ್ರತಿರೋಧದ ದನಿಗಳ ರಕ್ಷಣೆ ದುರ್ಬಲವಾಗುತ್ತದೆ ಮತ್ತು ಸಾಂವಿಧಾನಿಕ ನಿಯಮಗಳ ಚೌಕಟ್ಟಿನಲ್ಲಿ ಪ್ರಭುತ್ವದ ಶಕ್ತಿಗೆ ಮನ್ನಣೆ ನೀಡುವ ಸಾಧ್ಯತೆಗಳು ಹೆಚ್ಚಾಗುತ್ತವೆ. ನ್ಯಾಯಾಲಯಗಳೂ ದೈವೀಕ ದೊರೆಯ ಹಾಗೆ ತನ್ನ ಅಸ್ತಿತ್ವ ಮತ್ತು ಗೌರವದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುತ್ತದೆ. ನ್ಯಾಯಾಲಯವನ್ನು ಗಂಭೀರವಾಗಿ ಟೀಕಿಸುವುದಾಗಲೀ, ಅಣಕಿಸುವುದಾಗಲೀ ಸಾಧ್ಯವಾಗುವುದಿಲ್ಲ. ನ್ಯಾಯಾಲಯದ ಘನತೆ ಗೌರವದ ರಕ್ಷಣೆಗೆ ಅದರ ವಿಶ್ವಾಸಾರ್ಹತೆಗಿಂತಲೂ ಅವಜ್ಞೆಯ ಶಕ್ತಿ ಮುಖ್ಯವಾಗುತ್ತದೆ.
ಅಂತಿಮವಾಗಿ ಇನ್ನೂ ಗಂಭೀರ ಸ್ವರೂಪದ ಬರ್ಬರತೆ ಇಲ್ಲಿ ಕಾಣಿಸಿಕೊಳ್ಳುತ್ತದೆ. ಪ್ರಭುತ್ವ ತನ್ನದೇ ಪ್ರಜೆಗಳನ್ನು ಜನದ್ರೋಹಿಗಳೆಂದು ಪರಿಗಣಿಸಿದಾಗ ಇದು ವ್ಯಕ್ತವಾಗುತ್ತದೆ. ರಾಜಕಾರಣದ ಧ್ಯೇಯ ಸಮಸ್ತ ಜನತೆಗೂ ಸಮಾನ ನ್ಯಾಯ ಒದಗಿಸುವುದು ಆಗಿರುವುದಿಲ್ಲ. ರಾಜಕಾರಣವನ್ನು ಶೋಷಕರು ಮತ್ತು ಶೋಷಿತರ ನಡುವಿನ ಸಂಘರ್ಷದಂತೆ ಪರಿವರ್ತಿಸಲಾಗುತ್ತದೆ. ಪ್ರಭುತ್ವ ಸದಾ ವಿಜಯಿಯಾಗುವಂತೆ ಎಚ್ಚರವಹಿಸಲಾಗುತ್ತದೆ.
ಭಾರತದ ಸರ್ವೋಚ್ಛ ನ್ಯಾಯಾಲಯ ಎಂದೂ ಪರಿಪೂರ್ಣತೆಯನ್ನು ಹೊಂದಿರಲಿಲ್ಲ. ಈ ಹಿಂದೆಯೂ ಸಹ ಕೆಲವು ಕಪ್ಪು ಚುಕ್ಕೆಗಳನ್ನು ಗುರುತಿಸಬಹುದಿತ್ತು. ಆದರೆ ಮೇಲೆ ಉಲ್ಲೇಖಿಸಲಾದ ಅಂಶಗಳ ಹಿನ್ನೆಲೆಯಲ್ಲಿ ಸರ್ವೋಚ್ಛ ನ್ಯಾಯಾಲಯವು ನ್ಯಾಯಿಕ ಬರ್ಬರತೆಯತ್ತ ಜಾರುತ್ತಿರುವ ಸೂಚನೆಗಳು ಕಾಣಿಸಿಕೊಳ್ಳುತ್ತಿದೆ. ಈ ವಿದ್ಯಮಾನ ಕೇವಲ ವ್ಯಕ್ತಿಗತವಾಗಿ ಒಬ್ಬ ನ್ಯಾಯಾಧೀಶರಿಗೆ ಅಥವಾ ಒಂದು ಪ್ರಕರಣಕ್ಕೆ ಸಂಬಂಧಿಸಿದ್ದಲ್ಲ. ಇದು ಸಾಂಸ್ಥಿಕವಾಗಿ ವ್ಯವಸ್ಥೆಯ ವಿದ್ಯಮಾನವಾಗಿದೆ. ಜಾಗತಿಕ ಮಟ್ಟದಲ್ಲೂ ಈ ಪ್ರವೃತ್ತಿಯನ್ನು ಗುರುತಿಸಬಹುದು.
ಟರ್ಕಿ, ಪೋಲೆಂಡ್ ಮತ್ತು ಹಂಗೆರಿಯಲ್ಲಿ ಇದರ ಛಾಯೆಯನ್ನು ಕಾಣಬಹುದು. ಈ ದೇಶಗಳಲ್ಲಿ ನ್ಯಾಯಾಂಗವು ಪ್ರಜಾತಾಂತ್ರಿಕ ಬರ್ಬರತೆಯನ್ನು ಪೋಷಿಸುತ್ತಿದೆ. ನಿಖರವಾಗಿ ಹೇಳುವುದಾದರೆ ಎಲ್ಲ ನ್ಯಾಯಾಧೀಶರೂ ಇದಕ್ಕೆ ಬಲಿಯಾಗುವುದಿಲ್ಲ. ವ್ಯವಸ್ಥೆಯಲ್ಲಿ ಇಂದಿಗೂ ಸಹ ಪ್ರತಿರೋಧದ ದನಿಗಳನ್ನು ಗುರುತಿಸಬಹುದು. ಸ್ವಾತಂತ್ರ್ಯದ ಪರ ಇರುವ ತಾತ್ವಿಕ ನೀತಿಗಳನ್ನು ಘೋಷಿಸುವ ಕೆಲವು ಪ್ರಸಂಗಗಳನ್ನೂ ಕಾಣಲು ಸಾಧ್ಯ.
ಅರ್ಹ ಅರ್ಜಿದಾರರಿಗೆ ಸಮಾಧಾನ ತರುವಂತಹ ತೀರ್ಪುಗಳನ್ನು ಅಪರೂಪವಾಗಿಯಾದರೂ ನೋಡಬಹುದು. ಹಾಗಾಗಿ ನಿತ್ಯ ಕಲಾಪಗಳಲ್ಲಿ ನ್ಯಾಯಾಂಗದ ಕಾರ್ಯವೈಖರಿಯಲ್ಲಿ ಏನೇ ದೋಷ ಗುರುತಿಸಬಹುದಾದರೂ ಸಂಸ್ಥೆಯ ಗೌರವ ಮತ್ತು ಘನತೆಯನ್ನು ಉಳಿಸುವ ಕೆಲವು ಪ್ರಸಂಗಗಳನ್ನು ಕಾಣಲೂ ಸಾಧ್ಯ.
ನ್ಯಾಯಿಕ ಬರ್ಬರತೆಯ ಲಕ್ಷಣಗಳೇನು ? ಪ್ರಜಾಪ್ರಭುತ್ವದ ಸಾಂಸ್ಥಿಕ ವಿಶ್ವಾಸಾರ್ಹತೆಯನ್ನು ಉಳಿಸುವಂತಹ ಪ್ರಕರಣಗಳಲ್ಲಿ ಸಕಾಲದಲ್ಲಿ ವಿಚಾರಣೆ ನಡೆಸಲು ನ್ಯಾಯಾಲಯ ನಿರಾಕರಿಸಿರುವುದು. ಇಲ್ಲಿ ಸ್ಪಷ್ಟ ನಿದರ್ಶನ ಎಂದರೆ ಚುನಾವಣಾ ಬಾಂಡ್ ಪ್ರಕರಣ.
ಸರ್ವೋಚ್ಛ ನ್ಯಾಯಾಲಯ ಮತ್ತು ಹಲವು ಉಚ್ಚ ನ್ಯಾಯಾಲಯಗಳು ಜಾಮೀನು ನೀಡುವ ಅಥವಾ ನಿರಾಕರಿಸುವ ಸಂದರ್ಭಗಳಲ್ಲಿ ನಿರಂಕುಶತೆಯ ಪರಾಕಾಷ್ಟೆ ತಲುಪಿರುವುದನ್ನು ಗಮನಿಸಬಹುದು. ಇಲ್ಲಿ ಒಂದು ಅಂಶವನ್ನು ಸ್ಪಷ್ಟವಾಗಿ ಹೇಳಬೇಕಾಗುತ್ತದೆ.
ಯಾವುದೇ ವಿಚಾರಣಾಧೀನ ಕೈದಿಗೆ ತಿಳಿದಿರುವಂತೆ, ಭಾರತದ ನ್ಯಾಯ ವ್ಯವಸ್ಥೆಯಲ್ಲಿ ನ್ಯಾಯಕ್ಕಾಗಿ ಆಗ್ರಹಿಸುವಾಗ ಅದೃಷ್ಟವೂ ಮುಖ್ಯವಾಗಿರುತ್ತದೆ. ಪ್ರಸ್ತುತ ಸಂದರ್ಭದ ವಿಶಿಷ್ಟತೆಯನ್ನು ನಾವು ತಪ್ಪಾಗಿ ಅರ್ಥೈಸಬೇಕಿಲ್ಲ. ಸಾಮಾಜಿಕ ಕಾರ್ಯಕರ್ತರಾದ, ದೇಶಪ್ರೇಮದ ಸಾಕಾರ ಎನ್ನಬಹುದಾದ ಸುಧಾ ಭರದ್ವಾಜ್, ಚಿಂತಕರಾದ ಆನಂದ್ ತೇಲ್ತುಂಬ್ಡೆ ಮುಂತಾದವರಿಗೆ ಜಾಮೀನು ನಿರಾಕರಿಸಲಾಗುತ್ತದೆ.
ಉಮರ್ ಖಾಲಿದ್ ಗೆ ತನ್ನ ಜೈಲು ಕೋಣೆಯಿಂದ ಹೊರಬರಲು ಕೊಂಚ ಅವಕಾಶ ನೀಡಿದ್ದುದು ಸಮಾಧಾನ ತರುವಂತಹುದು. ಆದರೆ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಪ್ರತಿಭಟಿಸಿ ಜೈಲುವಾಸ ಅನುಭವಿಸುತ್ತಿರುವ ಅನೇಕ ವಿದ್ಯಾರ್ಥಿ ಯುವಜನರು ಇಷ್ಟು ಅದೃಷ್ಟ ಮಾಡಿಲ್ಲ. ಪಾರ್ಕಿನ್ ಸನ್ ಖಾಯಿಲೆಯಿಂದ ಬಳಲುತ್ತಿರುವ 80 ವರ್ಷದ ಸಾಮಾಜಿಕ ಕಾರ್ಯಕರ್ತರಿಗೆ ಜಾಮೀನು ನಿರಾಕರಿಸಲಾಗುತ್ತದೆ.
ನ್ಯಾಯಾಲಯ ತನ್ನ ಇಚ್ಚೆಯನುಸಾರ ಇವರ ಅರ್ಜಿಯನ್ನು ವಿಚಾರಣೆಗೊಳಪಡಿಸುತ್ತದೆ. ಇದಕ್ಕಿಂತಲೂ ಹೆಚ್ಚಾಗಿ ಕ್ರೌರ್ಯದ ಅನಾವರಣ ಆಗಬೇಕಿಲ್ಲ. ಹೇಬಿಯಸ್ ಕಾರ್ಪಸ್ ಮೂಲಕ ಪರಿಹಾರವನ್ನೂ ನೀಡಲಿಚ್ಚಿಸದೆ, ನೂರಾರು ಕಾಶ್ಮೀರಿಗಳನ್ನು ಬಂಧನದಲ್ಲಿರಿಸಲಾಗಿದೆ.
ಈ ಎಲ್ಲ ಪ್ರಕರಣಗಳು ಸಾಂಸ್ಥಿಕ ಅದಕ್ಷತೆಯಿಂದ ಉಂಟಾದ ನ್ಯಾಯ ವಂಚನೆಯ ಅಪರೂಪದ ಪ್ರಕರಣಗಳೆಂದು ಭಾವಿಸಲಾಗುವುದಿಲ್ಲ. ಪ್ರತಿಭಟನೆ, ಪ್ರತಿರೋಧ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಪರಿಕಲ್ಪನೆಗಳನ್ನು ಪ್ರಭುತ್ವದ ಶತ್ರುಗಳು ಎನ್ನುವ ದೃಷ್ಟಿಕೋನದಿಂದಲೇ ನೋಡುವ ರಾಜಕೀಯ ನಿಲುವಿನ ನೇರ ಪರಿಣಾಮಗಳಾಗಿ ಇದನ್ನು ನಾವು ಪರಿಗಣಿಸಬೇಕಾಗುತ್ತದೆ.
ಈ ಪ್ರಜೆಗಳು ಕಾನೂನಿನ ದೃಷ್ಟಿಯಲ್ಲಿ ಸಮಾನ ಪ್ರಜೆಗಳಾಗಿ ಕಾಣುವುದಿಲ್ಲ. ಹಾಗಾಗಿ ಅನೇಕ ಪ್ರಕರಣಗಳಲ್ಲಿ ಇವರನ್ನು ಬಂಡುಕೋರರಂತೆ , ಯಾವುದೇ ಸಮರ್ಥನೆ ಇಲ್ಲದೆಯೇ, ಪರಿಗಣಿಸಲಾಗುತ್ತದೆ. ಭಿನ್ನಾಭಿಪ್ರಾಯವನ್ನು ಹತ್ತಿಕ್ಕಲು ಈ ಆರೋಪವೊಂದೇ ಪ್ರಜಾಪ್ರಭುತ್ವದ ಬರ್ಬರತೆಗೆ ಸಮರ್ಥನೀಯ ಸಾಧನ ಎನಿಸುತ್ತದೆ. ಈ ಧೋರಣೆಗೆ ಈಗ ನ್ಯಾಯಿಕ ಸಮರ್ಥನೆ ದೊರೆಯುತ್ತಿದೆ. ಇದೇ ವಿದ್ಯಮಾನವನ್ನು ರಾಜ್ಯಗಳ ಮಟ್ಟದಲ್ಲಿ ವಿವಿಧ ರಾಜಕೀಯ ಪಕ್ಷಗಳ ವಿರುದ್ಧ ಅನುಸರಿಸುವ ಸಾಧ್ಯತೆಗಳಿವೆ.
ನಾಗರಿಕ ಸ್ವಾತಂತ್ರ್ಯದ ಚೌಕಟ್ಟಿನಲ್ಲಿ ಆಯ್ದ ಪ್ರಸಂಗಗಳಲ್ಲಿ ಅನ್ವಯಿಸಲಾಗುವ ನಿಯಮಗಳು ಕ್ರಮೇಣ ಪ್ರಭುತ್ವದ ಸೈದ್ಧಾಂತಿಕ ಚೌಕಟ್ಟಿನಲ್ಲಿ ಅಳವಡಿಸಲಾಗುತ್ತದೆ. ಒಂದಾದ ಮೇಲೊಂದರಂತೆ ರಾಜ್ಯಗಳು ಲವ್ ಜಿಹಾದ್ ವಿರುದ್ಧ ಕಾನೂನು ಜಾರಿಗೊಳಿಸುತ್ತಿರುವುದನ್ನು ಗಮನಿಸಿದರೆ, ಕೋಮುವಾದಿ ದೃಷ್ಟಿಕೋನದ ಈ ವಂಚಕ ಬಲೆಯನ್ನು ಎಲ್ಲ ರಾಜ್ಯಗಳೂ ಅನುಸರಿಸುವ ಸಾಧ್ಯತೆಗಳಿವೆ.
ವ್ಯಕ್ತಿ ಸ್ವಾತಂತ್ರ್ಯದ ಮೇಲಿನ ಈ ಪ್ರಹಾರವನ್ನು ನ್ಯಾಯಾಲಯಗಳು ಹೇಗೆ ನ್ಯಾಯಬದ್ಧವಾಗಿಸುತ್ತವೆ ಎನ್ನುವುದನ್ನು ಗಮನಿಸುತ್ತಿರಿ. ದೇಶದ ಅತ್ಯುನ್ನತ ನ್ಯಾಯಾಲಯದ ದೌರ್ಬಲ್ಯಗಳನ್ನು ಸಾಂಸ್ಥಿಕ ಸುಧಾರಣೆಯ ಪರಿಭಾಷೆಯಲ್ಲಿ ಗುರುತಿಸುವ ಹಂತದಿಂದ ನಾವು ಬಹಳ ದೂರ ನಡೆದುಬಂದಿದ್ದೇವೆ. ಬದಲಾಗಿ ಪ್ರಜಾತಾಂತ್ರಿಕ ಬರ್ಬರತೆಯ ಪರಿಭಾಷೆಗೆ ನ್ಯಾಯಿಕ ಸ್ವರೂಪವನ್ನು ನೀಡಲಾಗುತ್ತಿದೆ.
ಅರ್ನಾಬ್ ಗೋಸ್ವಾಮಿಗೆ ಜಾಮೀನು ನೀಡಿದ ಸರ್ವೋಚ್ಚ ನ್ಯಾಯಾಲಯದ ಕ್ರಮ ಸರಿಯಾದದ್ದೇ. ಕೊನೆಗೂ ನ್ಯಾಯಾಲಯವು ಉತ್ತರಪ್ರದೇಶ ಸರ್ಕಾರಕ್ಕೆ, ಪತ್ರಕರ್ತರ ಬಂಧನದ ವಿಚಾರದಲ್ಲಿ ನೋಟಿಸ್ ಜಾರಿ ಮಾಡಿದೆ. ಆದರೆ ನ್ಯಾಯಮೂರ್ತಿ ಎಸ್ ಎ ಬೋಬ್ಡೆ ಮಧ್ಯ ಪ್ರವೇಶಿಸಿ, ಸರ್ವೋಚ್ಚ ನ್ಯಾಯಾಲಯವು ಸಂವಿಧಾನ ವಿಧಿ 32ರ ಬಳಕೆಯನ್ನು ಅನುಮೋದಿಸುವುದಿಲ್ಲ ಎಂದು ಹೇಳುವ ಮೂಲಕ ತಮಗೆ ತಿಳಿಯದೆಯೇ ರಹಸ್ಯವೊಂದನ್ನು ಹೊರಗೆಡಹಿದ್ದಾರೆ.
ಭಾರತದ ಸಂವಿಧಾನದಲ್ಲಿ ವಿಧಿ 32 ಮೂಲಭೂತ ಹಕ್ಕುಗಳನ್ನು ರಕ್ಷಿಸುವ ಒಂದು ಪ್ರಬಲ ಅಸ್ತ್ರ. ತುರ್ತುಪರಿಸ್ಥಿತಿ ಘೋಷಿಸಿದಲ್ಲಿ ಮಾತ್ರವೇ ಇದನ್ನು ರದ್ದುಪಡಿಸಬಹುದು. ಒಂದು ರೀತಿಯಲ್ಲಿ ಈ ಪರಿಚ್ಚೇದದ ಬಳಕೆಯನ್ನು ಅನುಮೋದಿಸದೆ ಇರುವುದು ನಮ್ಮ ಕಾಲಘಟ್ಟದ ರೂಪಕದಂತೆ ಕಾಣುತ್ತದೆ. ಅಂದರೆ ನಾವು ತುರ್ತುಪರಿಸ್ಥಿತಿಯನ್ನು ಘೋಷಿಸಲೇ ಬೇಕಿಲ್ಲ, ತುರ್ತುಪರಿಸ್ಥಿತಿ ಘೋಷಣೆಯಾಗಿದೆ ಎನ್ನುವ ರೀತಿಯಲ್ಲೇ ನಮಗೆ ಬೇಕಾದಾಗ ವರ್ತಿಸಬಹುದು ಎನ್ನುವಂತಾಗಿದೆ. ಹಾಗಾಗಿ ವಿಧಿ 32ರ ಬಳಕೆಯನ್ನು ರದ್ದುಪಡಿಸದಿದ್ದರೂ ಅನುಮೋದಿಸುವುದಿಲ್ಲ ಎಂದು ಹೇಳಲಾಗಿದೆ.
ಇದರ ವಿರುದ್ಧ ಹೋರಾಟ ಸುಲಭವಲ್ಲ. ಪ್ರಜಾತಾಂತ್ರಿಕ ಬರ್ಬರತೆಯ ವಾತಾವರಣದಲ್ಲಿ ಪ್ರತಿಯೊಂದು ವಿಚಾರವನ್ನೂ ಪಕ್ಷಪಾತೀಯ ನೆಲೆಯಲ್ಲಿ ನೋಡಲಾಗುವುದೇ ಹೊರತು ತರ್ಕಬದ್ಧತೆಯಿಂದಲ್ಲ. ನ್ಯಾಯಾಂಗವು ಈ ಧೋರಣೆಯನ್ನು ಮೀರಿ ನಿಂತಿದೆ ಎಂದು ತೋರಿಸಿಕೊಳ್ಳಲೂ ವಿಫಲವಾಗಿರುವುದರಿಂದ ನ್ಯಾಯಾಂಗದ ನಿಷ್ಕರ್ಷೆಯೂ ಇದಕ್ಕೆ ಪೂರಕವಾಗಿಯೇ ಕಂಡುಬರುತ್ತಿದೆ.
ನ್ಯಾಯಿಕ ಅಪರಾಧಿಗಳನ್ನೂ ನಮ್ಮ ಮೂಗಿನ ನೇರಕ್ಕೆ ಅನುಗುಣವಾಗಿ ಪರಿಗಣಿಸುವ ಈ ಧೋರಣೆ ತೀವ್ರವಾಗಿರುವ ಸಂದರ್ಭದಲ್ಲಿ ಕಾನೂನು ಪಾಲನೆಯ ಬಗ್ಗೆ ಒಮ್ಮತಕ್ಕೆ ಬರುವುದು ಸುಲಭವೇನಲ್ಲ. ವಿಡಂಬನೆ ಎಂದರ, ಪ್ರತಿಯೊಂದು ವಿಚಾರವನ್ನೂ ನಿರ್ಷರ್ಷೆ ಮಾಡಲು ನ್ಯಾಯಾಂಗವೊಂದೇ ವೇದಿಕೆ ಎನ್ನುವ ದೃಷ್ಟಿಕೋನದಲ್ಲಿ ಬೆಳೆದುಬಂದಿರುವ ಕಾನೂನಾತ್ಮಕ ಕ್ರಿಯಾಶೀಲತೆಯ ಸಂಪ್ರದಾಯವೇ ಈ ರೀತಿಯ ನ್ಯಾಯಿಕ ಉನ್ಮತ್ತತೆಗೆ ಕಾರಣವಾಗಿದೆ. ಈ ಪ್ರವೃತ್ತಿ ಇನ್ನೂ ಮುಂದುವರೆಯಲಿದೆ.
ಉದಾಹರಣೆಗೆ, ಸೆಂಟ್ರಲ್ ವಿಸ್ಟಾ ಯೋಜನೆಯ ಬಗ್ಗೆ ( ನೂತನ ಸಂಸತ್ ಭವನ ನಿರ್ಮಾಣ ಯೋಜನೆ-ಅನು ) ನಾವು ನಮ್ಮದೇ ಆದ ನಿಲುವು ಹೊಂದಿರಬಹುದು. ಆದರೆ ಈ ವಿಚಾರಗಳಿಗೆ ನ್ಯಾಯಾಲಯಗಳು ಹೆಚ್ಚಿನ ಪ್ರಾಶಸ್ತ್ಯ ನೀಡಬೇಕಿಲ್ಲ. ನ್ಯಾಯಾಲಯಗಳಿಂದ ಸಣ್ಣ ಪುಟ್ಟ ನೀತಿ ಸಂಹಿತೆಯ ವಿಚಾರಗಳಲ್ಲಿ ಜಯ ಗಳಿಸುವ ಸಂಭ್ರಮದಲ್ಲಿ ನಾವು ಬಹುಶಃ ಸಾಂವಿಧಾನಿಕ ತತ್ವಗಳ ವಿಚಾರದಲ್ಲಿ ನ್ಯಾಯಾಲಯಗಳ ಉಲ್ಲಂಘನೆಗಳಿಗೆ ಮಾನ್ಯತೆ ನೀಡುತ್ತಿದ್ದೇವೆ ಎನಿಸುತ್ತದೆ.
ನ್ಯಾಯವಾದಿಗಳ ಸಂಘದಲ್ಲಿ ಒಂದು ಸಂಸ್ಕೃತಿ ಇದೆ. ದುಷ್ಯಂತ ದವೆ, ಗೌತಮ್ ಭಾಟಿಯಾ, ಶ್ರೀರಾಂ ಪಂಚು ಮುಂತಾದವರು ನೇರವಾಗಿ ನ್ಯಾಯಾಂಗದ ಹುಳುಕುಗಳನ್ನು ಎತ್ತಿ ತೋರುವ ಆತ್ಮಸ್ಥೈರ್ಯ ಹೊಂದಿದ್ದಾರೆ. ಆದರೆ ಇದು ವೃತ್ತಿಪರ ನೆಲೆಯಲ್ಲಿ ಹಿಮ್ಮೆಟ್ಟಿಸುವ ಶಕ್ತಿಯಾಗಿ ಹೊರಹೊಮ್ಮಿಲ್ಲ. ಇಂದಿಗೂ ಸಹ ನ್ಯಾಯಿಕ ಬರ್ಬರತೆಯನ್ನು ಸಹನೀಯ ಎಂದು ಭಾವಿಸಿ, ನ್ಯಾಯಾಲಯಗಳ ಪವಿತ್ರ ಸ್ಥಾನಮಾನವನ್ನು ಮಾನ್ಯ ಮಾಡುವ ಹಿರಿಯ ವಕೀಲರ ಸಂಖ್ಯೆ ಹೆಚ್ಚಾಗಿಯೇ ಇದೆ.
ಇದು ವಿನಯ ರಹಿತ ಉತ್ಪ್ರೇಕ್ಷೆ ಎನಿಸಬಹುದು ಆದರೆ ವೀಮಾರ್ ನ್ಯಾಯಾಂಗದ ಛಾಯೆ ( ಹಿಟ್ಲರನ ನಾಝಿ ಕಾಲಘಟ್ಟದಲ್ಲಿ ಜರ್ಮನಿಯಲ್ಲಿದ್ದ ಸಂವಿಧಾನ ಮತ್ತು ನ್ಯಾಯ ವ್ಯವಸ್ಥೆ-ಅನು) ದಟ್ಟವಾಗಿ ಆವರಿಸುತ್ತಿರುವ ಸಂದರ್ಭದಲ್ಲಿ ದೇಶದ ಸಾಮಾನ್ಯ ಜನತೆಗೆ ವಿನಯ ಒಂದು ಆಯ್ಕೆಯಾಗಲು ಸಾಧ್ಯವಿಲ್ಲ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.
‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)
AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.
ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.
ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.
ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.
ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.
ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ
ಸುದ್ದಿದಿನ,ದಾವಣಗೆರೆ:ಮಾರ್ಚ್ 18 ರಿಂದ ಪ್ರಾರಂಭವಾಗುವ ಎಸ್.ಎಸ್.ಎಲ್.ಸಿ ಫಲಿತಾಂಶವನ್ನು ಹೆಚ್ಚಿಸಲು ಶಿಕ್ಷಕರು ಮತ್ತು ಮುಖ್ಯೋಪಾಧ್ಯಾಯರು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು.
ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ತುಂಗಭದ್ರಾ ಸಭಾಂಗಣದಲ್ಲಿ ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆ ಮತ್ತು ಶೈಕ್ಷಣಿಕ ಕಾರ್ಯಾಗಾರದಲ್ಲಿ ಜಿಲ್ಲಾ ಪ್ರೌಢಶಾಲೆಯ ಮುಖ್ಯ ಶಿಕ್ಷಕರು ಮತ್ತು ಉಪ ಪ್ರಾಂಶುಪಾಲರನ್ನು ಉದ್ದೇಶಿಸಿ ಮಾತನಾಡಿದರು.
ಪ್ರಸ್ತುತ ಎಸ್.ಎಸ್.ಎಲ್.ಸಿ ಎರಡು ಪೂರ್ವಭಾವಿ ಪರೀಕ್ಷೆಗಳು ನಡೆದಿದ್ದು ಶೇ. 18 ಕ್ಕಿಂತ ಕಡಿಮೆ ಫಲಿತಾಂಶ ಪಡೆದ ಶಾಲೆಗಳಿಗೆ ನೋಟಿಸ್ ನೀಡಿ ವಿವರಣೆಯನ್ನು ಪಡೆಯಬೇಕು, ಎಸ್.ಎಸ್.ಎಲ್.ಸಿ ಗೆ ಪ್ರವೇಶ ಪಡೆದು ಪರೀಕ್ಷೆಗೆ ಗೈರಾಗಿರುವ ಮಕ್ಕಳ ಬಗ್ಗೆ ಮಾಹಿತಿಯನ್ನು ಕಲೆಹಾಕಿ ಮನೆಮನೆ ಭೇಟಿ, ಅವರನ್ನು ಮತ್ತೇ ಶಾಲೆಗೆ ಕರೆತರಲು ಕ್ರಮವಹಿಸಬೇಕು ಎಂದು ತಿಳಿಸಿದರು.
ಡಿಡಿಪಿಐ ಕೊಟ್ರೇಶ್ ಅವರು ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 21,863 ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪ್ರವೇಶ ಪಡೆದಿದ್ದಾರೆ, ವಿವಿಧ ಕಾರಣಗಳಿಂದ 378 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿಲ್ಲ. ಅಂತಿಮವಾಗಿ 21,400 ವಿದ್ಯಾರ್ಥಿಗಳು ಪರೀಕ್ಷೆಗೆ ದಾಖಲಾಗಿದ್ದಾರೆ. ಮೊದಲ ಪೂರ್ವಸಿದ್ಧತಾ ಪರೀಕ್ಷೆಗೆ 20,129 ವಿದ್ಯಾರ್ಥಿಗಳು ಹಾಜರಾಗಿದ್ದು, 1,353 ವಿದ್ಯಾರ್ಥಿಗಳು ಗೈರುಹಾಜರಾಗಿದ್ದರು.
ಕಡಿಮೆ ಹಾಜರಾತಿ (75% ಕ್ಕಿಂತ ಕಡಿಮೆ) ಮತ್ತು ಪರೀಕ್ಷೆಯ ಬಗ್ಗೆ ಆಸಕ್ತಿ ಇಲ್ಲದಿರುವುದು ಗೈರುಹಾಜರಿಗೆ ಮುಖ್ಯ ಕಾರಣಗಳಾಗಿವೆ. ಮೊದಲ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಜಿಲ್ಲೆಯ ಒಟ್ಟು ಫಲಿತಾಂಶ 49% ಬಂದಿದೆ. ಎರಡನೇ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಫಲಿತಾಂಶ 68% ಕ್ಕೆ ಏರಿಕೆಯಾಗಿದೆ, ಆದರೆ 1,460 ವಿದ್ಯಾರ್ಥಿಗಳು ಗೈರುಹಾಜರಾಗಿದ್ದರು. ಗೈರುಹಾಜರಾದ ವಿದ್ಯಾರ್ಥಿಗಳ ಮನೆಗೆ ಭೇಟಿ ನೀಡಿ, ಪೋಷಕರ ಮನವೊಲಿಸಿ ಅವರನ್ನು ಶಾಲೆಗೆ ಕರೆತರುವಂತೆ ಕ್ರಮವಹಿಸಲಾಗಿದೆ, ವಿದ್ಯಾರ್ಥಿಗಳ ಸಂದೇಹಗಳನ್ನು ಪರಿಹರಿಸುವುದು ಮತ್ತು ಪರೀಕ್ಷಾ ವಿಧಾನಗಳ ಬಗ್ಗೆ ತಿಳಿಸಿಕೊಡುವುದು.
ಮಂಡಳಿಯಿAದ ನೀಡಲಾದ 4 ಮಾದರಿ ಪ್ರಶ್ನೆ ಪತ್ರಿಕೆಗಳು ಮತ್ತು 2 ಪೂರ್ವಸಿದ್ಧತಾ ಪರೀಕ್ಷಾ ಪತ್ರಿಕೆಗಳು ಸೇರಿದಂತೆ ಒಟ್ಟು 6 ಪ್ರಶ್ನೆ ಪತ್ರಿಕೆಗಳನ್ನು ಪದೇ ಪದೇ ಬಿಡಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬುವುದು. ಅನುತ್ತೀರ್ಣರಾಗುವ ಸಾಧ್ಯತೆ ಇರುವ ಸುಮಾರು 1,400 ವಿದ್ಯಾರ್ಥಿಗಳ ಮೇಲೆ ಹೆಚ್ಚಿನ ಗಮನ ಹರಿಸಿ ಅವರು ತೇರ್ಗಡೆಯಾಗುವಂತೆ ನೋಡಿಕೊಳ್ಳಲು ಕ್ರಮವಹಿಸಲಾಗಿದೆ ಎಂದು ಸಭೆಗೆ ತಿಳಿಸಿದರು.
ಶಿಕ್ಷಕರು ಅತಿ ಮುಖ್ಯವಾಗಿ ಗೈರುಹಾಜರಾಗಿರೋ ಮಕ್ಕಳನ್ನ ಶಾಲೆಗೆ ಕರೆತರಬೇಕು, ಮನೆ ಮನೆ ಭೇಟಿ ಮಾಡಿ ಪಾಲಕ ಪೋಷಕರಿಗೆ ಮನವೊಲಿಸಿ, ಶಿಕ್ಷಣ ಇಲಾಖೆ ನೀಡಿರುವ ಬ್ಲೂಪ್ರಿಂಟ್ ಪ್ರಕಾರ ಮಕ್ಕಳನ್ನು ಸಿದ್ದಗೊಳಿಸಿ, ಪ್ರಶ್ನೆ ಪತ್ರಿಕೆಗಳನ್ನ ಪದೇ ಪದೇ ಬಿಡಿಸೋದರ ಮೂಲಕ ಮಕ್ಕಳಲ್ಲಿ ಒಂದು ಆತ್ಮವಿಶ್ವಾಸ ತುಂಬಬೇಕು , ಗೈರಾಗಿರುವ ವಿದ್ಯಾರ್ಥಿಗಳ ಸಂಖ್ಯೆ 1,400 ಇದೆ, ಆ ವಿದ್ಯಾರ್ಥಿಗಳು ಉತ್ತೀರ್ಣರಾದರೆ ಒಂದು ಉತ್ತಮ ಫಲಿತಾಂಶವನ್ನ ನಿರೀಕ್ಷೆ ಮಾಡಬಹುದು, ಮಕ್ಕಳಿಗೆ ಪಾಠದ ಜೊತೆಗೆ ಆಟಕ್ಕೂ ಅವಕಾಶ ನೀಡಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಸಭೆಯಲ್ಲಿ ಸಿಇಒ ಗಿತ್ತೇ ಮಾಧವ ವಿಠಲ್ ರಾವ್, ಡಯಟ್ ಪ್ರಾಂಶುಪಾಲರಾದ ಗೀತಾ, ಜಿಲ್ಲೆಯ ಎಲ್ಲಾ ಕ್ಷೇತ್ರಶಿಕ್ಷಣಾಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಫೆ.14 ರಂದು ಸಂತ ಸೇವಾಲಾಲ್ರವರ 287ನೇ ಜಯಂತಿ ಕಾರ್ಯಕ್ರಮ
ಸುದ್ದಿದಿನ,ದಾವಣಗೆರೆ:ಸಂತ ಸೇವಾಲಾಲ್ರವರ 287ನೇ ಜಯಂತ್ಸೋವ ಕಾರ್ಯಕ್ರಮವು ಫೆ. 14 ರಂದು ಮಧ್ಯಾಹ್ನ 2 ಗಂಟೆಗೆ ನ್ಯಾಮತಿ ತಾಲ್ಲೂಕಿನ ಭಾಯಾಗಡ್-ಸೂರಗೊಂಡನಕೊಪ್ಪದಲ್ಲಿ ನಡೆಯಲಿದೆ.
ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ತಾಂಡಾ ಅಭಿವೃದ್ದಿ ನಿಗಮ ನಿಯಮಿತ, ಸಂತ ಸೇವಾಲಾಲ್ ಕ್ಷೇತ್ರ ಅಭಿವೃದ್ದಿ ಮತ್ತು ನಿರ್ವಾಹಣಾ ಪ್ರತಿಷ್ಠಾನ ಹಾಗೂ ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ(ರಿ) ಭಾಯ್ಗಡ್, ಸೂರಗೊಂಡನಕೊಪ್ಪ ಇವರ ಸಹಯೋಗದಲ್ಲಿ ಜರುಗಲಿರುವ ಕಾರ್ಯಕ್ರಮವನ್ನು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಉದ್ಘಾಟಿಸುವರು.ಹೊನ್ನಾಳಿ ಕ್ಷೇತ್ರದ ಶಾಸಕರಾದ ಡಿ.ಜಿ.ಶಾಂತನಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಗಣಿ ಮತ್ತು ಭೂವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಸಂತಸೇವಾಲಾಲ್ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು. ಸಮಾಜ ಕಲ್ಯಾಣ ಸಚಿವರಾದ ಡಾ.ಹೆಚ್.ಸಿ.ಮಹಾದೇವಪ್ಪ ಇವರು ವಲಸೆ ಮಕ್ಕಳ ವಸತಿ ಶಾಲೆಯ ಶಂಕುಸ್ಥಾಪನೆಯನ್ನು ಉದ್ಘಾಟಿಸುವರು.
ಕೇಂದ್ರ ಬೃಹತ್ ಕೈಗಾರಿಕಾ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ, ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವರಾದ ವಿ.ಸೋಮಣ್ಣ ಘನ ಉಪಸ್ಥಿತರಾಗಿರುವರು.
ಮುಖ್ಯ ಅತಿಥಿಗಳಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವರಾದ ಹೆಚ್.ಕೆ.ಪಾಟೀಲ್, ಗೃಹಮಂತ್ರಿಗಳಾದ ಡಾ.ಜಿ.ಪರಮೇಶ್ವರ, ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ, ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಮಧು ಬಂಗಾರಪ್ಪ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ, ವಿರೋಧಪಕ್ಷದ ನಾಯಕರಾದ ಆರ್.ಅಶೋಕ, ಮತ್ತು ಛಲವಾದಿ ನಾರಾಯಣಸ್ವಾಮಿ, ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ವೆಂಕಟೇಶ್ ನಾಯ್ಕ.ಟಿ, ವಿಧಾನಸಭೆಯ ಉಪಸಭಾಪತಿ ಹಾಗೂ ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿಯ ಅಧ್ಯಕ್ಷರಾದ ರುದ್ರಪ್ಪ ಮಾನಪ್ಪ ಲಮಾಣಿ, ಮಹಾರಾಷ್ಟ್ರ ಸರ್ಕಾರದ ಮಣ್ಣು ಮತ್ತು ಜಲ ಸಂರಕ್ಷಣಾ ಸಚಿವರಾದ ಸಂಜಯ್ ಡಿ.ರಾಥೋಡ್, ಮಹಾರಾಷ್ಟ್ರ ಸರ್ಕಾರದ ಪ್ರವಾಸೋದ್ಯಮ, ಲೋಕೋಪಯೋಗಿ, ಕೈಗಾರಿಕೆ ಉನ್ನತ ಹಾಗೂ ತಾಂತ್ರಿಕ ಶಿಕ್ಷಣ ಸಚಿವರಾದ ಇಂದ್ರನಿಲ್ ಮನೋಹರ್ ನಾಯ್ಕ್, ತೆಲಂಗಾಣ ರಾಜ್ಯದ ಮಹಬೂಬಬಾದ್ ಕ್ಷೇತ್ರದ ಸಂಸದರಾದ ಬಲರಾಮ ನಾಯ್ಕ, ಭಾಗವಹಿಸುವರು.
ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್, ಶಾಸಕರುಗಳಾದ ಕೆ.ಎಸ್.ಬಸವಂತಪ್ಪ, ಬಿ.ದೇವೇಂದ್ರಪ್ಪ, ಬಸವರಾಜು ವಿ.ಶಿವಗಂಗಾ, ಬಿ.ಪಿ ಹರೀಶ್, ಜೆ.ಡಿ.ಎಸ್ ಶಾಸಕಾಂಗ ಪಕ್ಷದ ಉಪನಾಯಕರು ಹಾಗೂ ಶಾಸಕರಾದ ಶಾರದಾ ಪೂರ್ಯಾನಾಯ್ಕ, ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಜಿ.ಹೆಚ್ ಮರಿಯೋಜಿರಾವ್, ಕರ್ನಾಟಕ ಜೀವ ವೈವಿಧ್ಯ ಮಂಡಳಿಯ ಅಧ್ಯಕ್ಷರಾದ ವಡ್ನಾಳ್ ಜಗದೀಶ್, ಬಯಲುಸೀಮೆ ಪ್ರದ್ರೇಶಾಭಿವೃದ್ದಿ ಮಂಡಳಿಯ ಹೆಚ್.ಬಿ.ಮಂಜಪ್ಪ, ಬ್ರಾಹ್ಮಣ ಅಭಿವೃದ್ದಿ ನಿಗಮದ ಅಧ್ಯಕ್ಷ ಅಸಗೋಡು ಜಯಸಿಂಹ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎನ್. ಜಯದೇವನಾಯ್ಕ್, ವಿಧಾನ ಪರಿಷತ್ ಸದಸ್ಯರುಗಳಾದ ಎಸ್.ಎಲ್.ಭೋಜೇಗೌಡ, ಡಿ.ಎಸ್.ಅರುಣ್, ಕೆ.ಅಬ್ದುಲ್ ಜಬ್ಬಾರ್, ಡಿ.ಟಿ.ಶ್ರೀನಿವಾಸ್, ಚಿದಾನಂದ ಎಂ.ಗೌಡ, ಕೆ.ಎಸ್.ನವೀನ್, ಡಾ.ಧನಂಜಯ್ ಸರ್ಜಿ, ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಕಾಂತಾನಾಯಕ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಶಾಮನೂರು.ಟಿ.ಬಸವರಾಜ್,ಲೋಕಸೇವಾ ಆಯೋಗದ ಸದಸ್ಯರಾದ ಭೋಜ್ಯಾನಾಯ್ಕ, ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರ ಕೃಷ್ಣಾ ಮೇಲ್ದಂಡೆ ಯೋಜನೆಯ ಅಧ್ಯಕ್ಷರಾದ ಬಾಬು ಹೊನ್ನನಾಯಕ್, ಬಂಜಾರ ಸಂಸ್ಕೃತಿ ಹಾಗೂ ಭಾಷಾ ಅಕಾಡೆಮಿಯ ಅಧ್ಯಕ್ಷರಾದ ಡಾ. ಮೋತಿಲಾಲ್ ಚವ್ಹಾಣ್, ವಿಧಾನಸಭಾ ಕ್ಷೇತ್ರದ ಶಾಸಕರಾದ ಪ್ರಭು ಬಿ ಚವ್ಹಾಣ್, ಡಾ.ಅವಿನಾಶ್ ಜಾಧವ್, ನೇಮಿರಾಜ್ ನಾಯ್ಕ್, ಕೃಷ್ಣನಾಯ್ಕ, ಡಾ.ಚಂದ್ರ ಲಮಾಣಿ, ಭಾಯ್ಗಡ್ ಉನ್ನತಮಟ್ಟದ ಸಲಹಾ ಸಮಿತಿಯ ಅಧ್ಯಕ್ಷರು ಹಾಗೂ ಮಾಜಿ ಸಚಿವರಾದ ಪಿ.ಟಿ ಪರಮೇಶ್ವರ್ನಾಯ್ಕ್.
ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ರಂದೀಪ್.ಡಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ದಿ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಶಮ್ಲಾ ಇಕ್ಬಾಲ್, ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರಾದ ಡಾ.ರಾಕೇಶ್ ಕುಮಾರ್.ಕೆ, ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ, ಜಿ.ಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠ್ಠಲ್ ರಾವ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೇಖರ್.ಹೆಚ್ ತೆಕ್ಕಣ್ಣನವರ್, ಸಮಾಜ ಕಲ್ಯಾಣ ಇಲಾಖೆಯ ನೋಡೆಲ್ ಎಜೆನ್ಸಿ ಸಲಹೆಗಾರರಾದ ಡಾ.ಇ ವೆಂಕಯ್ಯ, ಕ.ತಾ.ಅ.ನಿ.ನಿ ವ್ಯವಸ್ಥಾಪಕ ನಿರ್ದೇಶಕರಾದ ಎನ್.ರಾಜು, ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ(ರಿ) ಪ್ರಧಾನ ಧರ್ಮದರ್ಶಿ ಬಿ. ಹೀರಾನಾಯ್ಕ, ಮಹಾಮಠ ನಿರ್ವಹಣಾ ಸಮಿತಿಯ ಅಧ್ಯಕ್ಷರಾದ ಹನುಮಂತನಾಯ್ಕ, ಸಮಿತಿಯ ಪ್ರಧಾನ ಕಾರ್ಯದರ್ಶಿ ಎನ್.ಅರುಣ್ ಕುಮಾರ್ ಭಾಗವಹಿಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoದಾವಣಗೆರೆ | ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ4 days agoಫೆ.14 ರಂದು ಸಂತ ಸೇವಾಲಾಲ್ರವರ 287ನೇ ಜಯಂತಿ ಕಾರ್ಯಕ್ರಮ
-
ದಿನದ ಸುದ್ದಿ3 days agoಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ
-
ದಿನದ ಸುದ್ದಿ5 days agoಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ : ಆಯುಕ್ತೆ ರೇಣುಕಾ ಆದೇಶ
-
ದಿನದ ಸುದ್ದಿ3 days agoಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ

