ದಿನದ ಸುದ್ದಿ
ನರೇಗಾ ಯೋಜನೆ ಬಗ್ಗೆ ಸಚಿವ ಈಶ್ವರಪ್ಪ ಹೇಳಿದ್ದೇನು..?
ಸುದ್ದಿದಿನ,ಚಾಮರಾಜನಗರ : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಕೆ.ಎಸ್ ಈಶ್ವರಪ್ಪ ಅವರು ಜಿಲ್ಲೆಯ ವಿವಿಧ ಭಾಗಗಳಿಗೆ ಶನಿವಾರ ಭೇಟಿ ನೀಡಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಹಾಗೂ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಅಭಿವೃದ್ಧಿ ಕೆಲಸಗಳನ್ನು ವೀಕ್ಷಿಸಿದರು.
ಮಲೆ ಮಹದೇಶ್ವರ ಬೆಟ್ಟದಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ಕೈಗೊಂಡಿರುವ ನರೇಗಾ ಕಾಮಗಾರಿಯನ್ನು ವ್ಯಾಪಕವಾಗಿ ಪರಿಶೀಲಿಸಿದರು. ಬೀದಿಬದಿ ವ್ಯಾಪಾರಿಗಳಿಗೆ ಜಾಬ್ ಕಾರ್ಡ್ಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು ಕೋವಿಡ್-19ರ ಲಾಕ್ಡೌನ್ ಸಂದರ್ಭದಲ್ಲಿ ಕೂಲಿ ಕಾರ್ಮಿಕರು, ರಸ್ತೆಬದಿ ವ್ಯಾಪಾರಿಗಳು ಇನ್ನಿತರ ವೃತ್ತಿ ನಿರ್ವಹಿಸುವವರಿಗೆ ನರೇಗಾ ಯೋಜನೆ ಬದುಕಿಗೆ ಆಸರೆಯಾಗಿದೆ ಎಂದರು.
ಬಳಿಕ ಹನೂರು ತಾಲೂಕಿನ 291 ಗ್ರಾಮಗಳಿಗೆ ಶಾಶ್ವತ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಾಗಿ ಕೊಳ್ಳೇಗಾಲ ತಾಲೂಕಿನ ಸರಗೂರು ಗ್ರಾಮದ ಕಾವೇರಿ ನದಿ ಬಳಿ ಜಾಕ್ವೆಲ್ ಸ್ಥಳ ವೀಕ್ಷಣೆ ಮಾಡಿದರು. ಈ ಸಮಯದಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳ ನಿರ್ಮಾಣಕ್ಕೆ ಭೂಮಿ ಗುರುತಿಸುವ ಕೆಲಸವನ್ನು ಶೀಘ್ರವಾಗಿ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.
ತದನಂತರ ಚಾಮರಾಜನಗರ ತಾಲೂಕಿನ ಗ್ರಾಮಗಳಿಗೆ ನೀರು ಪೂರೈಸುವ ಉಮ್ಮತ್ತೂರಿನ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಶುದ್ಧಿಕರಣ ಘಟಕಕ್ಕೆ ಭೇಟಿ ನೀಡಿ ಅಲ್ಲಿನ ಕಾರ್ಯನಿರ್ವಹಣೆಯನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ಶಾಸಕರಾದ ಆರ್. ನರೇಂದ್ರ, ಎನ್. ಮಹೇಶ್, ಜಿಲ್ಲಾ ಪಂಚಾಯತ್ ಸದಸ್ಯರಾದ ಶಿವಮ್ಮ, ಉಪವಿಭಾಗಧಿಕಾರಿ ನಿಖಿತಾ ಎಂ. ಚಿನ್ನಸ್ವಾಮಿ, ತಹಶೀಲ್ದಾರ್ ಕೆ. ಕುನಾಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಬೋಯರ್ ನಾರಾಯಣರಾವ್, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ರುಕ್ಮಿಣಿ, ಕುಮಾರಸ್ವಾಮಿ, ಉಪಾಧ್ಯಕ್ಷರಾದ ಮಹೇಶ್, ಗ್ರಾಮಿಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ಶಿವಶಂಕರ್, ಪಂಚಾಯಿತಿ ಅಭಿವೃದ್ದಿ ಅಧಿಕಾರಿ ರಾಜ್ಕುಮಾರ್, ಇತರರು ಹಾಜರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243