ದಿನದ ಸುದ್ದಿ
ಕಲಬುರಗಿ | ಕಾಳಜಿ ಕೇಂದ್ರದಲ್ಲಿ ಊಟದೊಂದಿಗೆ ಹಣ್ಣು-ಹಾಲು ಪೂರೈಕೆ
ಸುದ್ದಿದಿನ,ಕಲಬುರಗಿ : ಭೀಮಾ ನದಿ ಪ್ರವಾಹದಿಂದ ತ್ತತರಿಸುವ ಸಂತ್ರಸ್ತರಿಗೆ ಆಶ್ರಯ ನೀಡಲು ತೆರೆದಿರುವ ಕಾಳಜಿ ಕೇಂದ್ರದಲ್ಲಿ ಬೆಳಗಿನ ಉಪಹಾರ ಮತ್ತು ಮಧ್ಯಾಹ್ನ ಮತ್ತು ರಾತ್ರಿ ಊಟದ ಜೊತೆಗೆ ಹಣ್ಣು, ಹಾಲು ನೀಡುವ ಮೂಲಕ ಜಿಲ್ಲಾಡಳಿತ ಸಂಕಷ್ಟದಲ್ಲಿರುವವರಿಗೆ ಸ್ಪಂದಿಸುವ ಕೆಲಸ ಮಾಡುತ್ತಿದೆ.
ರವಿವಾರ ಪತ್ರಕರ್ತರ ತಂಡ ಭೀಮಾ ನದಿಗೆ ಹೆಚ್ಚಿನ ನೀರು ಹರಿಸಿದ ಪರಿಣಾಮ ಪ್ರವಾಹ ಪೀಡಿತ ಪ್ರದೇಶವಾಗಿ ಮಾರ್ಪಟ್ಟಿರುವ ಅಫಜಲಪೂರ ತಾಲೂಕಿನ ಸೊನ್ನ, ಶಿರವಾಳ ಗ್ರಾಮಕ್ಕೆ ಭೇಟಿ ನೀಡಿದಾಗ ಈ ದೃಶ್ಯ ಕಂಡುಬಂತು.
ಭೀಮಾ ನದಿಯ ಹಿನ್ನೀರಿನಿಂದ ಅಫಜಲಪೂರ ತಾಲೂಕಿನ ಶಿರವಾಳ-ಭಂಕಲಗಾ ಮಧ್ಯೆ ರಸ್ತೆ ಮೇಲೆ ಮೂರಡಿ ನೀರು ಬಂದ ಪರಿಣಾಮ ದ್ವಿಚಕ್ರ ಮತ್ತು ನಾಲ್ಕು ಚಕ್ರ ವಾಹನಗಳ ಸಂಚಾರ ಸ್ಥಗಿತಗೊಳಿಸಿ ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ. ಸ್ಥಳೀಯರು ಗ್ರಾಮಗಳ ನಡುವಿನ ಪ್ರಯಾಣಕ್ಕೆ ಟ್ರ್ಯಾಕ್ಟರ್ ಮೊರೆ ಹೋಗಿದ್ದಾರೆ.
ಶಿರವಾಳ ಗ್ರಾಮದಲ್ಲಿ ಸುಮಾರು 15ಕ್ಕೂ ಹೆಚ್ಚಿನ ಮನೆಗಳು ಹಿನ್ನೀರಿನಿಂದ ಬಾಧಿತವಾಗಿದ್ದು, ಸುಮಾರು 70 ಜನರನ್ನು ಗ್ರಾಮದ ಶಾಲೆಯಲ್ಲಿ ತೆರೆದಿರುವ ಕಾಳಜಿ ಕೇಂದ್ರದಲ್ಲಿ ಊಟೋಪಚಾರ ಮಾಡಲಾಗುತ್ತಿದೆ. ಬೆಳಿಗ್ಗೆ ಉಪಹಾರ, ಮಧ್ಯಾಹ್ನ ಮತ್ತು ರಾತ್ರಿ ಊಟ ನೀಡಲಾಗುತ್ತಿದೆ. ಮೂರು ಹೊತ್ತು ಬಾಳೆ ಹಣ್ಣು, ಮಕ್ಕಳಿಗೆ ಬಿಸ್ಕಿಟ್ ನೀಡಲಾಗುತ್ತಿದೆ ಎಂದು ಗೌರ(ಬಿ) ಗ್ರಾಮ ಪಂಚಾಯತಿಯ ಪಿ.ಡಿ.ಓ ಶಂಕರ ಧಾಮಣ್ಣ ತಿಳಿಸಿದರು.
ಅಫಜಲಪೂರ್ ಕಾಳಜಿ ಕೇಂದ್ರದಲ್ಲಿ ನೂರಾರು ಸಂಖ್ಯೆಯಲ್ಲಿ ನಿರಾಶ್ರಿತರು: ಸೊನ್ನ, ಅಳ್ಳಗಿ(ಬಿ), ಇಂಚಗೇರಾ, ಕೆಲ್ಲೂರ, ಬನ್ನಟ್ಟಿ ಹಾಗೂ ಶಿರೂರ ಗ್ರಾಮಗಳಿಂದ ರಕ್ಷಣೆ ಮಾಡಿ ಕರೆತರಲಾಗಿರುವ ಸಂತ್ರಸ್ತರಿಗೆ ಅಫಜಲಪೂರ ಪಟ್ಟಣದ ಹೊರವಲಯದ ಪದವಿ ಕಾಲೇಜಿನಲ್ಲಿ ಇರಿಸಲಾಗಿದ್ದು, ಅಳ್ಳಗಿ (ಬಿ) ಮತ್ತು ಸೊನ್ನ ಗ್ರಾಮದ 261 ಜನರಿದ್ದರೆ, ಇಂಚಗೇರಾ, ಕೆಲ್ಲೂರ, ಬನ್ನಟ್ಟಿ ಹಾಗೂ ಶಿರೂರ ಗ್ರಾಮಗಳ 500ಕ್ಕೂ ಹೆಚ್ಚು ಸಚಿತ್ರಸ್ತರಿಗೆ ಇಲ್ಲಿ ಆಶ್ರಯ ನೀಡಲಾಗಿದೆ.
ಅಫಜಲಪೂರ ಕಾಳಜಿ ಕೇಂದ್ರಕ್ಕೆ ರವಿವಾರ ಭೇಟಿ ನೀಡಿದ ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಕಾರಿ ಅಬ್ದುಲ್ ನಬಿ ಮಾತನಾಡಿ ಭೀಮಾ ಪ್ರವಾಹದಿಂದ ನಿರಾಶ್ರಿತಗೊಂಡ 8603 ಜನರಿಗೆ ರಕ್ಷಣೆ ಮಾಡಿದ್ದು, ತಾಲೂಕಿನ ವಿವಿಧೆಡೆ ಸ್ಥಾಪಿಸಲಾದ 11 ಕಾಳಜಿ ಕೇಂದ್ರಗಳಲ್ಲಿ ಇವರಿಗೆ ಆಶ್ರಯ ನೀಡಿ ಬೆಳಿಗ್ಗೆ ಉಪಹಾರ, ಹಣ್ಣು, ಚಹಾ ಮಧ್ಯಾಹ್ನ ಮತ್ತು ರಾತ್ರಿ ಚಪಾಟಿ, ಪಲ್ಯಾ, ಅನ್ನ, ಸಾರು ಊಟದ ಜೊತೆಗೆ ಹಣ್ಣು, ಹಾಲು ನೀಡಲಾಗುತ್ತಿದೆ. ಇದಲ್ಲದೆ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಸಹ ಪೂರೈಸಲಾಗುತ್ತಿದೆ ಎಂದರು.
ಅಫಜಲಪೂರ್-ಸಿಂದಗಿ ರಸ್ತೆ ಕಟ್: ಸೊನ್ನ ಬ್ಯಾರೇಜಿನಿಂದ 8 ಲಕ್ಷಕ್ಕೂ ಹೆಚ್ಚಿನ ಕ್ಯುಸೆಕ್ ನೀರು ಬಿಟ್ಟಿದ್ದರಿಂದ ಕೆಳ ಹಚಿತದಲ್ಲಿ ಬರುವ ದೇವಣಗಾಂವ ಬ್ರಿಡ್ಜ್ ತುಂಬಿ ಹರಿಯುತ್ತಿದ್ದು, ಮುಂಜಾಗ್ರತವಾಗಿ ವಾಹನಗಳ ಸಂಚಾರ ನಿಷೇಧಿಸಲಾಗಿದೆ.
ರವಿವಾರ 600 ಜನರ ರಕ್ಷಣೆ: ಭೀಮಾ ನದಿ ಪ್ರವಾಹದ ಹಿನ್ನೀರಿನಿಂದ ಸುತ್ತುವರಿದಿರುವ ಅಫಜಲಪೂರ ತಾಲೂಕಿನ ಉಡಚಣದಲ್ಲಿ ಗ್ರಾಮಸ್ಥರ ರಕ್ಷಣೆಗೆ ರವಿವಾರ ಧುಮುಕಿರುವ ಸೇನಾ ಪಡೆ 44 ಸದಸ್ಯರ ಎಸ್.ಡಿ.ಆರ್.ಎಫ್. ತಂಡ ಹಾಗೂ ಅಗ್ನಿಶಾಮಲ ದಳದ ತಂಡದೊಂದಿಗೆ ಕಾರ್ಯಾಚರಣೆಗೆ ಇಳಿದು ಸುಮಾರು 600 ಜನರನ್ನು ರಕ್ಷಿಸಿ ಕಾಳಜಿ ಕಂದ್ರಕ್ಕೆ ಶಿಫ್ಟ್ ಮಾಡಲಾಗಿದೆ.
ಗ್ರಾಮದಲ್ಲಿ 9 ರಿಂದ 10 ಸಾವಿರ ಜನಸಂಖ್ಯೆ ಇದ್ದು, ರವಿವಾರದ ವರೆಗೆ 6 ರಿಂದ 7 ಸಾವಿರ ಜನರನ್ನು ರಕ್ಷಿಸಲಾಗಿದೆ. ಸಾಯಂಕಾಲದ ಹೊತ್ತಿಗೆ ನೀರು ಇಳಿಕೆ ಕಂಡಿದ್ದರಿಂದ ಗ್ರಾಮದ ಎತ್ತರ ಪ್ರದೇಶದಲ್ಲಿದ್ದ ಜನರು ಅಲ್ಲಿಯೆ ಉಳಿದುಕೊಂಡಿದ್ದಾರೆ. ಅವರನ್ನು ಮನವೊಲಿಸಿ ಸ್ಥಳಾಂತರಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ಗ್ರಾಮದಲ್ಲಿ ಮೊಕ್ಕಾಂ ಹೂಡಿರುವ ಸಹಾಯಕ ಆಯುಕ್ತ ರಾಮಚಂದ್ರ ಗಡಾದೆ ತಿಳಿಸಿದ್ದಾರೆ.
ಪೇಟ್ ಫಿರೋಜಾಬಾದಿನಲ್ಲಿ ಸೇನಾ ಪಡೆ: ಸೇನಾ ತುಕಡಿಯ ಒಂದು ತಂಡ ರವಿವಾರ ಸಾಯಂಕಾಲ ಕಲಬುರಗಿ ತಾಲೂಕಿನ ಪೇಟ್ ಫಿರೋಜಾಬಾದ ಗ್ರಾಮದಲ್ಲಿ ಸಂತ್ರಸ್ತರ ಕಾರ್ಯಾಚರಣೆಗೆ ಇಳಿದಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಿದ್ಯಾರ್ಥಿಗಳು ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು: ಹೆಚ್ ಎನ್ ಶಿವಕುಮಾರ್
ಸುದ್ದಿದಿನ,ರಾಣೇಬೆನ್ನೂರ: ಸಾಮಾಜಿಕ ಹಾಗೂ ಶೈಕ್ಷಣಿಕ ಜವಾಬ್ದಾರಿಗಳ ಅಗತ್ಯವು ವಿದ್ಯಾರ್ಥಿಗಳಿಗೆ ಅವಶ್ಯಕವಾಗಿದೆ. ವಿದ್ಯಾರ್ಥಿಗಳು ತಮಗೆ ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು.ಸದಾಕಾಲ ಜ್ಞಾನವನ್ನು ಪಡೆಯುವ ತನಕ ಹೊಂದಿ ಜ್ಞಾನಿಗಳಾಗುವ ಗುರಿ ಹೊಂದಲು ಬಾಪೂಜಿ ಮಹಾವಿದ್ಯಾಲಯ ಉಪ ಪ್ರಾಚಾರ್ಯರಾದ ಎಚ್ ಎನ್ ಶಿವಕುಮಾರ್ ನುಡಿದರು.
ಅವರು ಸ್ಥಳೀಯ ಬಿಎಜೆಎಸ್ಎಸ್ ಪ್ರಥಮ ದರ್ಜೆ ಕಾಲೇಜಿನ ಪ್ರತಿಭಾ ಪುರಸ್ಕಾರ, ಬಿಳ್ಕೋಡಿಗೆ ಕಾರ್ಯಕ್ರಮ ಮತ್ತು ವಿದ್ಯಾರ್ಥಿ ಒಕ್ಕೂಟದ, ಎನ್ ಎಸ್ ಎಸ್ ಚಟುವಟಿಕೆ, ಯುವ ರೆಡ್ ಕ್ರಾಸ್ ಘಟಕದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.
ವಿಶೇಷ ಅತಿಥಿಗಳಾಗಿ ಉಪಸ್ಥಿತರಿದ್ದ ಬಿಎ ಜೆಎಸ್ಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಅಧಿಕಾರಿಗಳು ಡಾ.ಆರ್ ಎಂ ಕುಬೇರಪ್ಪ ಮಾತನಾಡಿ ವಿದ್ಯೆಯನ್ನು ವಿನಯದಿಂದ ವಿದ್ಯೆಕಲಿಯಬೇಕು ಸಂಸ್ಕಾರವಂತರಾಗ ಬೇಕು, ಸಂಸ್ಕಾರ ಹೊಂದಿರುವ ವ್ಯಕ್ತಿಗಳು ಪುರಸ್ಕಾರ ಪಡೆದರೆ ಸಂಸ್ಕಾರ ಇಲ್ಲದವರು ಸಮಾಜದಲ್ಲಿ ತಿರಸ್ಕಾರಕ್ಕೆ ಒಳಗಾಗುವರು.ನಿಮ್ಮ ಬದುಕನ್ನು ನೀವೆ ಕಟ್ಟಿಕೊಳ್ಳುವ ನೆಲೆಯಲ್ಲಿ ಪ್ರಯತ್ನಿಸಬೇಕು ಎಂದು ನುಡಿದರು.
ಪ್ರಾಚಾರ್ಯರಾದ ಪ್ರಕಾಶ್ ಬಸಪ್ಪನವರ್ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಎಚ್ ಎನ್ ಭೀಕ್ಷಾವರ್ತಿಮಠ ಹಾಗೂ ಕೆ ಕೆ ಹಾವಿನಾಳ ರವರು ವಿದ್ಯಾರ್ಥಿಗಳಿಗೆ ಹಿತವಚನ ನುಡಿದರು.ಆರಂಭದಲ್ಲಿಪ್ರೋ.ಎಂ ಡಿ ಹೊನ್ನಮ್ಮನವರ ಸ್ವಾಗತಿಸಿದರು.ಪ್ರೋ.ಶ್ರೀಕಾಂತ ಕುಂಚೂರ, ಪ್ರಾಸ್ತಾವಿಕ ಮಾತನಾಡಿ ವಾರ್ಷಿಕ ವರದಿ ವಾಚಿಸಿದರು.
ಕೊನೆಯಲ್ಲಿ ಪ್ರೋ.ಪುಷ್ಟಾ ಕಬ್ಬಿನಾಲೆ ವಂದಿಸಿದರು.ಇದೆ ಸಮಾರಂಭದಲ್ಲಿ ಕ್ರೀಡೆ, ಸಾಂಸ್ಕೃತಿಕ, ಸಾಮಾಜಿಕ ಸೇವೆಗಳಲ್ಲಿವಿದ್ಯಾರ್ಥಿಗಳ ಸಾಧನೆ ಗುರುತಿಸಿ ಪುರಸ್ಕಾರ ಮಾಡಲಾಯಿತು.ವರ್ಷದ ಮಹಾವಿದ್ಯಾಲಯ ಉತ್ತಮ ವಿದ್ಯಾರ್ಥಿಗಳನ್ನು ಗುರುತಿಸಿ ಪುರಸ್ಕಾರ ಪ್ರದಾನ ಮಾಡಲಾಯಿತು.ವಿವಿಧ ವಿಷಯದ ಉಪನ್ಯಾಸಕರು, ವಿದ್ಯಾರ್ಥಿಗಳು, ಸಿಬ್ಬಂದಿ ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಪಿಂಚಣಿ ದಾರರು ಸಕಾಲದಲ್ಲಿ ಜೀವಂತ ಪ್ರಮಾಣ ಪತ್ರ ಸಲ್ಲಿಸಿ
ಸುದ್ದಿದಿನ,ದಾವಣಗೆರೆ: ಪಿಂಚಣಿ ಪಡೆಯಲು ಜೀವಂತ ಸದಸ್ಯರ ಪ್ರಮಾಣ ಪತ್ರಗಳು ಕಡ್ಡಾಯವಾಗಿರುವುದರಿಂದ ಸಕಾಲಕ್ಕೆ ಸೂಕ್ತ ದಾಖಲಾತಿಗಳನ್ನು ನೀಡುವ ಮೂಲಕ ಸಹಕರಿಸಿ ಎಂದು ಉಪ ಮಹಾಲೇಖಪಾಲರಾದ ಸಚ್ಚಿನ್ ಕೃಷ್ಣ ಕೌಶಿಕ್ ತಿಳಿಸಿದರು.
ಶುಕ್ರವಾರ ಜೂನ್(19) ಬೆಂಗಳೂರಿನ ಮಹಾಲೇಖಪಾಲರು ದಾವಣಗೆರೆ ಜಿಲ್ಲಾ ಖಜಾನೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಾಮಾನ್ಯ ಭವಿಷ್ಯ ನಿಧಿ ಹಾಗೂ ಲೆಕ್ಕಪತ್ರ ಸಮಸ್ಯೆಗಳ ಕುರಿತು ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಪಿಂಚಣಿದಾರರು ತಮ್ಮ ಎಲ್ಲಾ ಬ್ಯಾಂಕ್ಗೆ 2ನೇ ವಾರ ಭೇಟಿ ನೀಡಿದರೆ ನಿಮ್ಮ ಸಮಸ್ಯೆಯನ್ನು ಶೀಘ್ರವಾಗಿ ಬಗೆಹರಿಸಲಾಗುವುದು. ಜೀವಂತ ಸದಸ್ಯರ ದೃಢೀಕರಣ ಪತ್ರವನ್ನು ಪಡೆಯಲು ಸೈಬರ್ಕೆಫೆ ಇನ್ನಿತರ ಕೇಂದ್ರಗಳಿಗೆ ಅಲೆಯುವ ಅವಶ್ಯಕತೆ ಇಲ್ಲ. ನೀವು ಮನೆಯಲ್ಲಿ ಮೊಬೈಲ್ನಲ್ಲಿ ಅಫ್ ಲೋಡ್ ಮಾಡಿ ಪಡೆಯಬಹುದು. ಮತ್ತು ನಿಮ್ಮ ಸಮಸ್ಯೆಗಳನ್ನು ತಿಳಿಸುವಾಗ ಅರ್ಜಿಯಲ್ಲಿ ಇ-ಮೇಲ್ ವಿಳಾಸ, ಮೊಬೈಲ್ ನಂಬರ್ನ್ನು ಕಡ್ಡಾಯವಾಗಿ ನಮೂದಿಸಿದರೆ, ಇದರಿಂದ ನಿಮಗೆ ಮಾಹಿತಿ ನೀಡಲು ಅನುಕೂಲವಾಗುತ್ತದೆ ಎಂದರು.
ಪಿಂಚಣಿ ಅದಾಲತ್ ಎನ್ನುವುದು ನಿವೃತ್ತ ನೌಕರರು ಮತ್ತು ಪಿಂಚಣಿದಾರರ ದೀರ್ಘಕಾಲದ ಬಾಕಿ ಉಳಿದಿರುವ ಸಮಸ್ಯೆಗಳನ್ನು ಅಥವಾ ಕುಂದುಕೊರತೆಗಳನ್ನು ಪರಿಹರಿಸಲು ವಿಶೇಷ ವೇದಿಕೆಯಾಗಿದೆ. ಸ್ಥಳದಲ್ಲೇ ಅರ್ಜಿಗಳನ್ನು ಪರಿಶೀಲಿಸಿ, ಬ್ಯಾಂಕ್ ಅಧಿಕಾರಿಗಳ ಸಮ್ಮುಖದಲ್ಲಿ ತ್ವರಿತವಾಗಿ ಸಮಸ್ಯೆಗಳನ್ನು ಬಗೆಹರಿಸುವುದು ಇದರ ಮುಖ್ಯ ಉದ್ದೇಶವಾಗಿದೆ.
ಮಹಾಲೇಖಪಾಲರ ಕಚೇರಿಯ ಹಿರಿಯ ಲೆಕ್ಕಪರಿಶೋಧನಾ ಅಧಿಕಾರಿ ನಾಗಸೇನಾ.ಟಿ.ವಿ, ಮತ್ತು ಪದ್ಮವತಿ, ಜಿಲ್ಲಾ ಖಜಾನೆಯ ಉಪನಿರ್ದೇಶಕರಾದ ರಮೇಶ್ ಅರೆಮಲ್ಲಾಪುರ, ಸಹಾಯಕ ಲೆಕ್ಕಪರಿಶೋಧನಾ ಆಧಿಕಾರಿ ಚಂದನ್ ಮತ್ತು ಜಾಬ್ಲೀನೋ, ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಗವಿಸಿದ್ಧ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿಗೆ ದಾವಣಗೆರೆಯ ಪಾಪು ಗುರು ಆಯ್ಕೆ
ಸುದ್ದಿದಿನ,ದಾವಣಗೆರೆ: ಕವಿ ಗವಿಸಿದ್ಧ ಎನ್. ಬಳ್ಳಾರಿ ವೇದಿಕೆ ಹಾಗೂ ಗವಿಸಿದ್ಧ ಎನ್. ಬಳ್ಳಾರಿ ಸಾಂಸ್ಕೃತಿಕ, ಕಲಾ, ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಸೇವಾ ಸಂಸ್ಥೆ, ಕೊಪ್ಪಳ ವತಿಯಿಂದ ನೀಡಲಾಗುವ **”ಗವಿಸಿದ್ಧ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ – 2026″**ಕ್ಕೆ ದಾವಣಗೆರೆಯ ಕವಿ ಹಾಗೂ ಪತ್ರಕರ್ತ ಪಾಪು ಗುರು ಅವರ “ಈ ಹೊತ್ತಿಗೆ ಇಷ್ಟು ಸಾಕು” ಕವನ ಹಸ್ತ ಪ್ರತಿ ಆಯ್ಕೆಯಾಗಿದೆ.
ಪ್ರಶಸ್ತಿಗೆ ಈ ಬಾರಿ ರಾಜ್ಯದ ವಿವಿಧ ಭಾಗಗಳಿಂದ ಒಟ್ಟು 53 ಕವನ ಹಸ್ತಪ್ರತಿಗಳು ಬಂದಿದ್ದು, ಅಂತಿಮ ಆಯ್ಕೆ ಪ್ರಕ್ರಿಯೆಯಲ್ಲಿ ಪಾಪು ಗುರು ಅವರ ಕೃತಿ ಪ್ರಶಸ್ತಿಗೆ ಪಾತ್ರವಾಗಿದೆ.
ಪ್ರಶಸ್ತಿಯು ₹5,000 ನಗದು ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ನವೆಂಬರ್ ತಿಂಗಳಲ್ಲಿ ಕೊಪ್ಪಳದಲ್ಲಿ ನಡೆಯಲಿರುವ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದೆ ಎಂದು ಸಾಹಿತ್ಯೋತ್ಸವದ ಸಂಚಾಲಕ ಮಹೇಶ್ ಬಳ್ಳಾರಿ ತಿಳಿಸಿದ್ದಾರೆ.
ಈಗಾಗಲೇ ಸಾಹಿತ್ಯ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಪಾಪು ಗುರು ಅವರ ‘ಮುಳ್ಳೆಲೆಯ ಮದ್ದು’, ‘ಮಣ್ಣೇ ಮೊದಲು’ ಕವನ ಸಂಕಲನಗಳು ಹಾಗೂ ‘ಸೂಜಿ’ ಕಾದಂಬರಿ ಪ್ರಕಟವಾಗಿವೆ. ಅಲ್ಲದೆ ‘ಕೆಂಪು ಕಾಂಡದ ಹೂ’ ಮತ್ತು ‘ಹಸಿರು ಹಾದಿಯ ಹೆಜ್ಜೆಗಳು’ ಕೃತಿಗಳನ್ನು ಸಂಪಾದನೆ ಮಾಡಿದ್ದಾರೆ. ಅವರ ಸೂಳೆಕೆರೆಯ ಇತಿಹಾಸದ ಹಿನ್ನೆಲೆ ಇರುವ ‘ಶಾಂತದೇವಿ’ ಕಾದಂಬರಿ ಮುದ್ರಣ ಹಂತದಲ್ಲಿದೆ.
ಸಾಹಿತ್ಯ, ಪತ್ರಿಕೋದ್ಯಮ ಮತ್ತು ಸೃಜನಶೀಲ ಬರವಣಿಗೆಯ ಮೂಲಕ ತಮ್ಮದೇ ಆದ ಛಾಪು ಮೂಡಿಸಿರುವ ಪಾಪು ಗುರು ಅವರಿಗೆ ದೊರೆತಿರುವ ಈ ಪ್ರಶಸ್ತಿ ಸಾಹಿತ್ಯ ವಲಯದಲ್ಲಿ ಸಂತಸಕ್ಕೆ ಕಾರಣವಾಗಿದೆ. ಇವರಿಗೆ ಜಿಲ್ಲೆಯ ಅಭಿಮಾನಿಗಳು, ಪತ್ರಕರ್ತರು ಮತ್ತು ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಸಾಹಿತಿ ಸಂತೆಬೆನ್ನೂರು ಫೈಜ್ನಟ್ರಾಜ್ ಹಾಗೂ ಹೆಚ್ ಬಿ. ಇಂದ್ರಕುಮಾರ್ ಅಭಿನಂದನೆ ಸಲ್ಲಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243


