Connect with us

ನೆಲದನಿ

ಕಂದಗಲ್ಲು ಓಬಕ್ಕನ ಸೋಬಾನೆ ಪದಗಳಲ್ಲಿ ಬಸವದರ್ಶನ

Published

on

ಭಾರತದ ಚರಿತ್ರೆಯನ್ನು ತಿಳಿಯುವುದಕ್ಕೆ ಶಿಷ್ಟ ಸಾಹಿತ್ಯದಷ್ಟೆ ಮೌಖಿಕ ಸಾಹಿತ್ಯವೂ ಮಹತ್ವದ ದಾಖಲೆಯನ್ನು ಒದಗಿಸುತ್ತದೆ. ಈ ಮೌಖಿಕ ಚರಿತ್ರೆಯು ನೆಲಮೂಲ ಬದುಕಿನ ಪ್ರತಿದನಿಯಾಗಿದೆ. ಇಂತಹ ಮೌಖಿಕ ಚರಿತ್ರೆಯು ನೆಲದನಿಯಾಗಿ ತನ್ನ ಸಂವೇದನೆಗಳನ್ನು ಅನಾವರಣಗೊಳಿಸುತ್ತ ಬಂದಿದೆ. ಆದರೆ ನಾವು ನಮ್ಮ ಚರಿತ್ರೆಯನ್ನು ಅಧ್ಯಯನ ಮಾಡುವ ಸಂದರ್ಭದಲ್ಲಿ ನಮ್ಮ ಮನೆಯಲ್ಲಿಯೇ ಇರುವ ಚರಿತ್ರೆಯನ್ನು ಅರಿಯದೆ ಯಾರೋ ತಮ್ಮಿಚ್ಚೆಯಂತೆ ಬರೆದು ಸಿದ್ಧಪಡಿಸಿದ ದಾಖಲೆಯೆ ನಿಜವಾದ ಚರಿತ್ರೆಯೆಂದು ಭಾವಿಸಿ, ನಮ್ಮ ನಡುವೆ ಇರಬಹುದಾದ ವಾಸ್ತವ ಚರಿತ್ರೆಯನ್ನು ಲೆಕ್ಕಿಸದೆ ತಿರಸ್ಕಾರಕ್ಕೆ ಗುರಿಪಡಿಸಿದ್ದೇವೆ.

‘ಹಿತ್ತಲಗಿಡ ಮದ್ದಲ್ಲ’ ಎಂಬ ಮನಸ್ಥಿತಿಯು ಒಂದು ಕಾಲದಲ್ಲಿ ಮನೆ ಮಾಡಿಕೊಂಡಿತ್ತು. ಇದಕ್ಕೆ ಕಾರಣವೆಂದರೆ, ಈ ಪ್ರಕಾರದ ಸಾಹಿತ್ಯಕ್ಕೆ ಯಾವುದೇ ಮನ್ನಣೆ ಇಲ್ಲ ಎಂಬುದು ಬಹುತೇಕರ ನಂಬಿಕೆಯಾಗಿತ್ತು. ಆದರೆ ಇಂದು ಪಾಶ್ಚಿಮಾತ್ಯ ವಿಚಾರಧಾರೆಗಳ ಪ್ರಭಾವ ಹಾಗೂ ಕೆಲವು ವಿಶ್ವವಿದ್ಯಾಲಯಗಳು ಕೈಗೊಂಡಿರುವ ಅಲಕ್ಷಿತ ಸಮುದಾಯ ಕೇಂದ್ರಿತ (ಸಬಾಲ್ಟ್ರನ್) ಅಧ್ಯಯನದ ಫಲವಾಗಿ ಇಂದು ಗ್ರಾಮೀಣ ಬದುಕಿನಲ್ಲಿರುವ ಮೌಖಿಕ ಸಾಹಿತ್ಯದ ಬಗ್ಗೆ ಹೆಚ್ಚು ಒಲವುಗಳು ಬೆಳೆಯಲಾರಂಭಿಸಿವೆ. ಇದರಿಂದಾಗಿ ಮೌಖಿಕ ಚರಿತ್ರೆಯನ್ನು ಪ್ರಮುಖ ನೆಲೆಗೆ ತರುವ ಪ್ರಯತ್ನಗಳು ನಡೆಯುತ್ತಿವೆ.

ಗ್ರಾಮೀಣ ಜನತೆಯು ತಮ್ಮದೆ ಆದ ಬದುಕನ್ನು ಕಟ್ಟಿಕೊಂಡು, ತಮ್ಮ ಬದುಕಿನ ಬವಣೆಗಳನ್ನು ಮೌಖಿಕ ಸಾಹಿತ್ಯದಲ್ಲಿ ಮುಂದುವರೆಸಿಕೊಂಡು ಬಂದಿದ್ದಾರೆ. ಇಂತಹ ಗ್ರಾಮೀಣ ಬದುಕಿನಲ್ಲಿ ಅಂತರ್ಗತವಾಗಿರುವ ಚರಿತ್ರೆಯೊಂದನ್ನು ತಮ್ಮ ಸಾಹಿತ್ಯದಲ್ಲಿ ವ್ಯಕ್ತಪಡಿಸುವ ಜಾನಪದ ಹಾಡುಗಾರ್ತಿಯರಲ್ಲಿ ಕಂದಗಲ್ಲು ಓಬಕ್ಕನವರು ಒಬ್ಬರಾಗಿದ್ದಾರೆ.

ದಾವಣಗೆರೆ ತಾಲ್ಲೂಕು ಕಂದಗಲ್ಲು ಗ್ರಾಮದಲ್ಲಿ ನೆಲೆಸಿರುವ ಓಬಕ್ಕ ಸುಮಾರು ನೂರು ವರ್ಷಗಳ ಗಡಿಯಲ್ಲಿದ್ದಾರೆ. ತಮ್ಮ ಬದುಕಿನ ಒಂದು ಭಾಗವಾಗಿ ಸೋಬಾನೆ ಪದಗಳನ್ನು ಮೌಖಿಕವಾಗಿ ಹಾಡಿಕೊಂಡು ಬಂದ ಇವರು, ಜನಪದ ಸಾಹಿತ್ಯದ ಗಣ ಯನ್ನು ತಮಗರಿವಿಲ್ಲದಂತೆ ಕಾಪಾಡಿಕೊಂಡು ಬಂದಿದ್ದಾರೆ. ಪೀಳಿಗೆಯಿಂದ ಪೀಳಿಗೆಗೆ ಮೌಖಿಕವಾಗಿ ಮುಂದುವರೆದುಕೊಂಡು ಬಂದಿರುವ ಈ ಪ್ರಕಾರವು ಇಂದಿನ ಜಾಗತಿಕ ಭರಾಟೆಯಲ್ಲಿ ತನ್ನ ಅಸ್ತಿತ್ವವನ್ನು ಕಳೆದುಕೊಳುವ ಹಂತಕ್ಕೆ ಬಂದು ನಿಂತಿದೆ.

ಓಬಕ್ಕನಿಗೆ ತಾನು ಕಾಪಾಡಿಕೊಂಡು ಬಂದಿರುವ ಈ ಸಾಹಿತ್ಯದ ಸೊಬಗನ್ನು ತನ್ನ ಮುಂದಿನ ಪೀಳಿಗೆಗೂ ಕಲಿಸಬೇಕೆಂಬ ಹಂಬಲವಿದೆ. ಆದರೆ ಇಂದಿನ ಜಾಯಮಾನದ ಮನಸುಗಳಿಗೆ ಇದು ವಲ್ಲದ ತುತ್ತಾಗಿದ್ದು, ನಮ್ಮ ಹೆಣ್ಣು ಮಕ್ಕಳು ಸಿನಿಮಾ ಧಾರಾವಾಹಿಗೆ ಜೋತುಬಿದ್ದಿರುವುದರ ಫಲವಾಗಿ ಸತ್ವಯುತವಾದ ತಮ್ಮ ಮನೆಯ ಸಾಹಿತ್ಯದ ಸೊಬಗನ್ನು ಹೊರಹಾಕಿ, ಅನ್ಯ ಸಂಸ್ಕಕೃತಿಯ ಅನುಕರಣೆ ಮತ್ತು ಸ್ವೀಕಾರದ ಕಾಲಘಟ್ಟದಲ್ಲಿದ್ದೇವೆ. ಇದಕ್ಕೆ ಪ್ರಮುಖವಾದ ಕಾರಣ ನಮ್ಮ ಸಂಸ್ಕಕೃತಿ, ಆಚಾರ, ವಿಚಾರಗಳಲ್ಲಿರುವ ಮೌಲ್ಯಗಳ ತಿಳುವಳಿಕೆಯ ಕೊರತೆಯು ಒಂದಾಗಿದೆ.

ಓಬಕ್ಕನಲ್ಲಿ ನೆಲೆಯೂರಿರುವ ಮೌಖಿಕ ಸಾಹಿತ್ಯದ ಸಾಮಥ್ರ್ಯವನ್ನು ಕುರಿತು ವಿಚಾರಿಸಿದಾಗ ನನಗೆ ದನಿಗೆ ಜೊತೆಗೂಡಿಸುವವರು ಸಿಕ್ಕರೆ ರಾತ್ರಿಯಿಡಿ ನಿರಂತರವಾಗಿ ತಾನು ಕಲಿತಿರುವ ಪದಗಳನ್ನು ಹಾಡುವುದಾಗಿ ಧೈರ್ಯದಿಂದ ಸವಾಲು ಹಾಕುತ್ತಿದ್ದರು. ಓಬಕ್ಕ ನೂರು ವರ್ಷದ ಆಜುಭಾಜಿನಲ್ಲಿದ್ದರೂ ತುಂಬು ಕ್ರಿಯಾಶೀಲತೆಯಿಂದ ಕೆಲಸ ಕಾರ್ಯಗಳನ್ನು ನಿರ್ವಹಿಸುವುದರ ಜೊತೆಗೆ, ಇಂದಿನ ಮಹಿಳೆಯರು ತಮ್ಮ ಮನೆಯಲ್ಲಿ ಮಾಡುವಂತಹ ಸಣ್ಣಪುಟ್ಟ ಕಸೂತಿಯಂತಹ ಕೆಲಸಗಳನ್ನು ಅನುಕರಣೆಯಿಂದ ಕಲಿತು ವಿವಿಧ ಬಗೆಯ ಕಸೂತಿಯ ವಸ್ತುಗಳನ್ನು ತಯಾರಿಸುವ ಸಾಮಥ್ರ್ಯವನ್ನು ಹೊಂದಿದ್ದಾರೆ.

ಸುಮಾರು ಮೂವತ್ತನೇ ವಯಸ್ಸಿನಲ್ಲಿ ತನ್ನ ಗಂಡನನ್ನು ಕಳೆದುಕೊಂಡ ಓಬಕ್ಕ ಬದುಕನ್ನು ಧೈರ್ಯವಾಗಿ ಎದುರಿಸುವ ಎದೆಗಾರಿಕೆಯನ್ನು ಬೆಳೆಸಿಕೊಂಡು ಬಂದಿದ್ದಾರೆ. ಓಬಕ್ಕನಿಗೆ ತಾನು ಕಲಿತಿರುವ ಪದಗಳನ್ನು ಇಂದು ಪ್ರದರ್ಶಿಸುವುದಕ್ಕೆ ಹಲವಾರು ಅಡೆತಡೆಗಳಿವೆ. ಅವುಗಳಲ್ಲಿ ಒಂದು, ತಾನು ವಂಶಪಾರಂಪರ್ಯವಾಗಿ ಉಳಿಸಿಕೊಂಡು ಬಂದಿರುವ ಪದಗಳನ್ನು ಹಾಡುವುದಕ್ಕೆ ದನಿಗೂಡಿಸುವಂತಹ ಸಮಾನ ಮನಸ್ಕರ ಕೊರತೆಯು ಒಂದಾಗಿದೆ. ಎರಡು, ನೂರರ ಗಡಿಯಲ್ಲಿರುವ ಇವರು ದನಿ ಎತ್ತಿ ಹಾಡುವಷ್ಟು ಸಾಮಥ್ರ್ಯವನ್ನು ಕಳೆದುಕೊಂಡಿದ್ದು, ಹೆಚ್ಚು ಸಮಯ ಹಾಡುವುದಕ್ಕೆ ಇವರ ದನಿಯಲ್ಲಿ ಸಾಮಥ್ರ್ಯವಿಲ್ಲ. ಹೀಗಾಗಿ ಇವರ ದನಿಯಲ್ಲಿ ನಡುಕವಿದೆ.

ಇದರಿಂದ ಇಂದು ಈ ಪದಗಳನ್ನು ಹಾಡುವುದಕ್ಕೆ ಅಡಚಣೆ ಉಂಟಾಗುತ್ತದೆ. ಮೂರು, ಇವರಿಗೆ ಪ್ರೊತ್ಸಾಹ ನೀಡಿ ಇವರ ಪದಗಳ ಮಹತ್ವವನ್ನು ಗುರುತಿಸುವವರ ಕೊರತೆಯಿದೆ. ನಾಲ್ಕು, ಇವರಲ್ಲಿನ ಈ ಸಾಹಿತ್ಯವನ್ನು ಆಸಕ್ತಿಯಿಂದ ತಿಳಿಯಬೇಕೆಂಬ ಹಂಬಲವುಳ್ಳವರ ಎದುರು ಹಾಡುವುದಕ್ಕೆ ಇವರಿಗೆ ಮುಜುಗರವಿದೆ. ಇದಕ್ಕೆ ಕಾರಣ ಇಂದಿನ ಕಾಲದಲ್ಲಿ ನಾವು ಹಾಡಿಕೊಂಡು ಬಂದಿರುವ ಹಾಡು (ಪದ)ಗಳಿಗೆ ಬೆಲೆಯಿಲ್ಲ ಎಂಬ ಕೀಳರಿಮೆಯ ಭಾವವನ್ನು ತಮ್ಮಲ್ಲಿ ಬೆಳೆಸಿಕೊಂಡಿದ್ದಾರೆ. ಹಾಗಾಗಿ ಈ ಪದಗಳನ್ನು ಸಂಗ್ರಹಿಸುವುದು ಹಾಗೂ ಇವರಿಗೆ ಸಂಗ್ರಹದ ಅಗತ್ಯತೆಯ ಅರಿವು ಮೂಡಿಸುವುದು ಕೂಡ ತ್ರಾಸದಾಯಕವಾದ ಕೆಲಸವಾಗಿದೆ.

ಇದು ಇಂದು ಈ ಮೌಖಿಕ ಸಾಹಿತ್ಯವನ್ನು ಕಡೆಗಣಿಸಿ ಆಧುನಿಕ ಸಂಗೀತ ಪ್ರಕಾರಕ್ಕೆ ಹೆಚ್ಚು ಜೋತುಬಿದ್ದಿರುವ ಪರಿಣಾಮದಿಂದಾಗಿ ಇಂತಹ ಸಾಹಿತ್ಯ ಪ್ರಕಾರವು ಇಂದು ಅವನತಿಯ ಅಂಚಿನಲ್ಲಿದೆ. ಓಬಕ್ಕನಂತಹ ಎಷ್ಟೋ ಜನಪದರಲ್ಲಿ ಕರಗತವಾಗಿರುವ ಸಾಹಿತ್ಯದ ಸೊಬಗು ಅಳಿವಿನಂಚಿನಲ್ಲಿದೆ.

ನಾನು ನನ್ನ ಬಾಲ್ಯದ ದಿನಗಳಿಂದಲೂ ಓಬಕ್ಕನನ್ನು ಹತ್ತಿರದಿಂದ ನೋಡಿದವನು. ಆದರೆ ನನಗೆ ಓಬಕ್ಕನ ಸಾಹಿತ್ಯದ ಮಹತ್ವ ದರ್ಶನವಾಗಿದ್ದು ನಾನು ಸಂಶೋಧನೆಗೆ ತೊಡಗಿಕೊಂಡ ಬಹುದಿನಗಳ ನಂತರ. ನನಗೆ ಓಬಕ್ಕ ಸಂಬಂಧದಲ್ಲಿ ಅಜ್ಜಿಯಾಗಬೇಕು ಎಂದುಕೊಂಡಿದ್ದೆ. ಆದರೆ ಓಬಕ್ಕನ ಪ್ರಕಾರ ನಾನು ಓಬಕ್ಕನಿಗೆ ತಮ್ಮನಾಗಿದ್ದೆ.

ನೂರು ವರ್ಷದ ಗಡಿಯಲ್ಲಿರು ಓಬಕ್ಕನಿಗೂ ಮೂವತ್ತರ ಗಡಿಯಲ್ಲಿರುವ ನನಗೂ ಅಕ್ಕ-ತಮ್ಮನ ಸಂಬಂಧ ಹೇಗೆ ಸಾಧ್ಯ ಎಂಬುದು ನನಲ್ಲಿ ಗೊಂದಲವನ್ನು ಮೂಡಿಸಿತ್ತು. ಆದರೆ ಓಬಕ್ಕ ಕಟ್ಟಿಕೊಡುವ ವಂಶವೃಕ್ಷದ ಪ್ರಕಾರ ಆಕೆಗೆ ನಾನು ತಮ್ಮನೆ ಆಗಿದ್ದೆ. ಈ ಕಾರಣದಿಂದಾಗಿ ನೂರರ ಪ್ರಾಯದ ಓಬಜ್ಜಿಯನ್ನು ಇಲ್ಲಿ ಓಬಕ್ಕ ಎಂಬುದಾಗಿಯೇ ಸಂಬೋಧಿಸುತ್ತಿದ್ದೇನೆ. ಓಬಕ್ಕನಲ್ಲಿ ಕರಗತವಾಗಿರುವ ಪದಗಳನ್ನು ಸಂಗ್ರಹ ಮಾಡುವಾಗ ನಾನು ಸಂಶೋಧನೆ ಮಾಡುತ್ತಿದ್ದೇನೆ. ನೀನು ಕಲಿತಿರುವ ಪದಗಳನ್ನು ಹಾಡು ಎಂದರೆ ಓಬಕ್ಕ ಹೇಳುವಂತಿರಲಿಲ್ಲ. ಇದಕ್ಕೆ ಕಾರಣ ತನ್ನ ಕಾಲದ ಪದಗಳು (ಸಾಹಿತ್ಯ) ಮಹತ್ವ ಕಳೆದುಕೊಂಡಿದೆ ಎಂಬ ಆತಂಕದಿಂದಲೊ ಅಥವಾ ಬದಲಾದ ಕಾಲಕ್ಕೆ ತಕ್ಕಂತೆ ಹೊಂದಿಕೊಳ್ಳುವ ಮಾನವ ಸಹಜ ಗುಣದಿಂದಲೊ ಓಬಕ್ಕ ಆಧುನಿಕ ಬದುಕಿನಲ್ಲಿ ಬೆರೆತುಕೊಂಡಿರುವ ಸಿನಿಮಾ ಮತ್ತು ಧಾರವಾಹಿ ಪ್ರಪಂಚಕ್ಕೆ ತನ್ನನ್ನು ತೆರೆದುಕೊಂಡಿದ್ದಳು.

ಇಂತಹ ಸಂದರ್ಭದಲ್ಲಿ ಓಬಕ್ಕನನ್ನು ಆಕೆಯ ಸಾಹಿತ್ಯ ಜಗತ್ತಿಗೆ ಕೊಂಡೊಯ್ಯಲು ವಿವಿಧ ತೆರನಾದ ಕಸರತ್ತುಗಳನ್ನು ಪ್ರದರ್ಶಿಸಬೇಕಾಯಿತು. ಕೊನೆಗೆ ನಿನಗೆ ವಯಸ್ಸಾಗಿದೆ, ನಿನ್ನ ಕಾಲದಲ್ಲಿ ಹಾಡುತ್ತಿದ್ದ ಪದಗಳನ್ನೆಲ್ಲ ಮರೆತಿರುವೆ. ನಿನಗೆ ‘ಅರವುಮರುವು’ ಎಂದಾಗ ತನ್ನ ಸಾಮಥ್ರ್ಯವನ್ನು ಪ್ರದರ್ಶಿಸುವ ನೆಲೆಯಲ್ಲಿ ಒಂದೊಂದಾಗಿಯೇ ತನ್ನ ಮನದ ಮೂಲೆಯಲ್ಲಿ ಕೇಂದ್ರಿಕರಿಸಿಕೊಂಡಿದ್ದ ಪದಗಳನ್ನು ಹಾಡುವ ಪ್ರಯತ್ನ ಮಾಡಿದರು.

ಓಬಕ್ಕನ ದನಿಯ ಸಮಸ್ಯೆಯನ್ನರಿತ ನಾನು ಅವರ ಬಳಿ ಒಂದೊಂದೆ ಸಾಲುಗಳನ್ನು ಸ್ಪಷ್ಟವಾಗಿ ತಿಳಿದುಕೊಂಡು ಬರೆಯಲು ಪ್ರಾರಂಭಿಸಿದೆ. ಒಂದು ಪದವನ್ನು ಸಂಪೂರ್ಣವಾಗಿ ಸಂಗ್ರಹಿಸಿದ ತರುವಾಯ ಅದರ ರಾಗ ಮತ್ತು ಲಯವನ್ನು ತಿಳಿಯುವ ಕಾತುರದಿಂದ ನಿಧಾನವಾಗಿ ಅವರಿಂದಲೇ ಪದಗಳನ್ನು ಹಾಡಿಸಿ, ಅವರ ಹಾಡಿನ ರಾಗವನ್ನು ಆಧುನಿಕ ವಿದ್ಯುನ್ಮಾನಗಳಲ್ಲಿ ಸಂಗ್ರಹಿಸಲು ಪ್ರಾರಂಭಿಸಿದೆ.

ಹೀಗೆ ಸಂಗ್ರಹಿಸಿದ ಪದಗಳಲ್ಲಿ ಬಸವಣ್ಣನ ಬದುಕಿಗೆ ಸಂಬಂಧಿಸಿದ ಕೆಲವು ಪದಗಳನ್ನು ಓಬಕ್ಕ ಹಾಡಿದ್ದರು. ನಾವು ಈಗಾಗಲೇ ಚರಿತ್ರೆಯ ಪಠ್ಯಗಳಲ್ಲಿ ಓದಿರುವುದಕ್ಕಿಂತ ಭಿನ್ನವಾದ ದರ್ಶನವೊಂದು ಓಬಕ್ಕನ ಪದಗಳಲ್ಲಿ ಕಂಡುಬಂದಿತು. ಆದ್ದರಿಂದ ಈ ನೆಲೆಯ ಜಾಡುಹಿಡಿದು ಜನಪದರ ಬದುಕಲ್ಲಿ ಕಂಡುಬರುವ ಸಮಾಜ ಸುಧಾರಕನಾದ ಬಸವಣ್ಣನ ಬದುಕನ್ನು ಅನಾವರಣಗೊಳಿಸುವ ನೆಲೆಯಲ್ಲಿ ‘ಓಬಕ್ಕನ ಬಸವದರ್ಶನ’ ಎಂಬ ಈ ಲೇಖನವನ್ನು ರಚಿಸುವ ಪ್ರಯತ್ನವನ್ನು ಇಲ್ಲಿ ಕೈಗೊಳ್ಳಲಾಗಿದೆ.

–2–

ಪ್ರಸ್ತುತ ಲೇಖನದಲ್ಲಿ ಓಬಕ್ಕ ಹಾಡಿದ ಸೋಬಾನೆ ಪದಗಳ (ಹಾಡು) ಮೂಲಕ ಜನಪದರು ಅಥವಾ ಸಾಮಾನ್ಯ ಜನತೆಯು ಸಮಾಜ ಸುಧಾರಕನಾದ ಬಸವಣ್ಣನನ್ನು ಕಾಣುವ ಬಗೆಯನ್ನು ಇಲ್ಲಿ ಚರ್ಚೆಗೆ ಒಳಪಡಿಸಲಾಗುವುದು. ನಮ್ಮ ಜನಪದ ಸಂಸ್ಕೃತಿ ಹಾಗೂ ಪರಂಪರೆಯಲ್ಲಿ ತಳವರ್ಗದ ಜನತೆಯ ಪರವಾಗಿ ಹೋರಾಡಿದ ಬಸವಣ್ಣನನ್ನು ಶಿವನ ಪ್ರತಿರೂಪವಾಗಿ ಸ್ವೀಕರಿಸಲಾಗಿದೆ.

ಇಲ್ಲಿ ಶಿವ ಬೇರೆಯಲ್ಲ, ಬಸವಣ್ಣ ಬೇರೆಯಲ್ಲ. ಇದಕ್ಕೆ ಕಾರಣ ಈ ನಾಡಿನ ಮೂಲ ಸಂಸ್ಕೃತಿಯು ಶೈವ ನೆಲೆಯದಾಗಿರುವುದು. ಹೀಗಾಗಿ ನಮ್ಮ ಜನಪದರು ಶಿವನ ಆರಾಧಕರಾಗಿ ಕಂಡುಬರುತ್ತಾರೆ. ತಮ್ಮ ಸಮುದಾಯದ ಜನತೆಯ ಪರವಾಗಿ ಹೋರಾಟ ನಡೆಸಿದ ಕ್ರಾಂತಿಕಾರರನ್ನು ಶಿವನ ಪ್ರತಿರೂಪವಾಗಿ ಕಾಣುತ್ತಾರೆ. ಆದ್ದರಿಂದ ಇಲ್ಲಿ ಶಿವ ಮತ್ತು ಬಸವಣ್ಣ ಒಂದೆಯಾಗಿ ಕಂಡುಬರುತ್ತಾರೆ. ತಳಸಮುದಾಯದ ಪ್ರಗತಿಗಾಗಿ ಬಸವಣ್ಣ ತನ್ನ ಹೋರಾಟವನ್ನು ನಡೆಸಿದ್ದು ಕ್ರಿ.ಶ 12ನೇ ಶತಮಾನದಲ್ಲಿ. ಆದರೆ ಬಸವಣ್ಣನ ಮೂಲ ಆಶಯಗಳನ್ನು ಸ್ಥಾಪಿತ ಹಿತಾಸಕ್ತಿಗಳು ಅವರ ಇಚ್ಚಾನುಸಾರವಾಗಿ ಬಳಸಿಕೊಂಡು, ಆತನ ವಿಚಾರಗಳ ಅಡಿಯಲ್ಲಿ ಮೂಲಭೂತವಾದ ಧರ್ಮವೊಂದನ್ನು ಸ್ಥಾಪಿಸಿಕೊಂಡು ಬಂದಿವೆ.

ಈ ಸ್ಥಾಪಿತ ಮೌಲ್ಯಗಳಿಂದಾಗಿ ಬಸವಣ್ಣನ ಉದಾರವಾದಿ ನಿಲುವುಗಳನ್ನು ಇಂದು ಹುಡುಕುವುದು ಕೂಡ ಸಾಧ್ಯವಾಗದಷ್ಟು ದೂರ ಸರಿದಿವೆ. ಆದರೆ ತನ್ನ ಹಿತಕ್ಕಾಗಿ ಹೊರಾಡಿದ ಗುರುವನ್ನು ನಿಜದ ನೆಲೆಯಲ್ಲಿ ಆರಾಧಿಸಿಕೊಂಡು ಬಂದಿರುವುದನ್ನು ಜನಪದ ಪರಂಪರೆಯಲ್ಲಿ ಇಂದಿಗೂ ಗುರುತಿಸಬಹುದಾಗಿದೆ.
ಜನಪದರು ಬಸವಣ್ಣನನ್ನು ತಮ್ಮ ವಿಮೋಚನೆಗಾಗಿ ಹೋರಾಡಿದ ದೇವರೆಂದು ಆರಾಧಿಸುವುದು ಮಾತ್ರವಲ್ಲ, ಬಸವಣ್ಣನ ಸಂಕಷ್ಟಗಳನ್ನು ತಮ್ಮ ನೋವುಗಳೆಂಬಂತೆ ಆತನ ನೋವುಗಳಿಗೆ ಮಿಡಿಯುತ್ತಾ ಬಂದಿದ್ದಾರೆ. ಈ ಮನೋಭಾವವು ಜನಪದರಲ್ಲಿನ ಹೃದಯ ವೈಶಾಲ್ಯವನ್ನು ಕಟ್ಟಿಕೊಡುತ್ತದೆ. ಇವರ ಈ ತುಡಿತ ಯಾವುದೇ ಸ್ವಾರ್ಥದಿಂದ ಕೂಡಿದ್ದಲ್ಲ, ಬದಲಾಗಿ ಇಲ್ಲಿ ಸಾಮಾಜಿಕ ಕಳಕಳಿ ಕಂಡುಬರುತ್ತದೆ.

ಶಿಷ್ಟ ಪರಂಪರೆಯು ಬಸವಣ್ಣನ ಮಹಿಮೆಯನ್ನು ತಮ್ಮ ಇಚ್ಚಾನುಸಾರ ವರ್ಣನಾತ್ಮಕ ನೆಲೆಯಲ್ಲಿ ಚಿತ್ರಿಸಿಕೊಂಡು, ಹಲವಾರು ಕಡೆಗಳಲ್ಲಿ ಪ್ರಕ್ಷಿಪ್ತಗಳನ್ನು ಉಂಟುಮಾಡಿದೆ. ಇದಕ್ಕೆ ಕಾರಣ ಸ್ಥಾಪಿತ ಹಿತಾಸಕ್ತಿಗಳಿಗೆ ಧಕ್ಕೆಯಾಗದಂತೆ ಕಾಪಾಡುವ ಮೂಲಕ ಅಸಮಾನತೆಯ ಸಾಮಾಜಿಕ ವ್ಯವಸ್ಥೆಯನ್ನು ಮುಂದುವರೆಸಿಕೊಂಡು ಬಂದಿರುವುದಾಗಿದೆ.

ಇಂತಹ ಪ್ರಕ್ಷಿಪ್ತ ಮಾದರಿಗಳನ್ನು ಹಲವಾರು ಶಿಷ್ಟ ಸಾಹಿತ್ಯ ಕೃತಿಗಳಲ್ಲಿ ಗುರುತಿಸಬಹುದಾಗಿದೆ. ಆದರೆ ಇದಕ್ಕೆ ಪರ್ಯಾಯ ನೆಲೆಯಲ್ಲಿ ಸಾಮಾನ್ಯ ಜನರ ಬದುಕಿಗಾಗಿ ಹೋರಾಡಿದ ಬಸವಣ್ಣನ ನೋವಿಗೆ ಜನಪದರು ತುಡಿಯುತ್ತ ಬಂದಿರುವ ಕೆಲವು ಸೋಬಾನೆ ಪದಗಳು ಈ ಮುಂದಿನಂತಿವೆ.

ಯಾರೇನೆಂದರು ನಿನಗೆ ಸದ್ಗುರು ದೇವ ||
ಬಾರ ದ್ರೋಹಿರಿ ಮನಗೆ
ಸದ್ಗರು ದೇವ | ನಿನಗ್ಯಾರೇನೆಂದರು ||
ಸಣ್ಣನಾಗಲಿ ಬಾಲ | ಲೋಲನಾಗಲಿ ಗುಣ
ಶೀಲನಾಗಲಿ ಮುಕ್ತಿ | ಕೀಲು ತೋರಿದೆ ಗುರುವೆ
ಸದ್ಗುರು ದೇವ | ನಿನಗ್ಯಾರೇನೆಂದರು ||
ಚಾರನೆಂಬುವರೇನು | ಸೂರನೆಂಬುವರೇನು
ಪರಮಾತ್ಮಕ ಸುವ್ವಿ
ಸದ್ಗುರು ದೇವ | ಯಾರೇನೆಂದರು ನಿನಗೆ ||
ಧರೆಯೊಳು ಕೂಡಲಿ | ಪುರದೊಳು ನೆಲೆಸಿರುವ
ವರಶ್ರೀಸಂಗಮ ಬಸವೇಸ್ಪುರಗೆ | ಯಾರೇನೆಂದರು
ಸದ್ಗುರು ದೇವ | ಯಾರೇನೆಂದರು ನಿನಗೆ ||

ಈ ಜನಪದ ಸಾಹಿತ್ಯವು ಬಸವಣ್ಣನ ಅಂತಿಮ ದಿನದ ಬದುಕಿನ ಸಂಕಷ್ಟಗಳನ್ನು ಅನಾವರಣಗೊಳಿಸುತ್ತದೆ. ಇಲ್ಲಿ ಬಸವಣ್ಣ ಮೌನ ತಾಳಿರುವುದಕ್ಕೆ ಹಲವಾರು ಕಾರಣಗಳಿವೆ. ತನ್ನ ಹೋರಾಟದ ಭಕ್ತಿಯ ಮಾರ್ಗವನ್ನು ಕುರಿತು ಬಸವಣ್ಣ ಹೇಳುವ ‘ಭಕ್ತಿಯೆಂಬುದು ಮಾಡಬಾರದು ಕಾಣ| ಗರಗಸವಿದ್ದಂತೆ’ ಎಂಬ ಮಾತು ಆತನ ಬದುಕಿನ ಸಂಕಷ್ಟಗಳನ್ನು ಕಟ್ಟಿಕೊಡುತ್ತದೆ.

ಇಲ್ಲಿ ತನ್ನ ಹೋರಾಟದ ಹಾದಿಯಲ್ಲಿ ಈತನು ಹಲವಾರು ಬಗೆಯ ನೋವನ್ನು ಅನುಭವಿಸಿರುತ್ತಾನೆ. ಒಂದೆಡೆ ಬ್ರಾಹ್ಮಣ್ಯವನ್ನು ಧಿಕ್ಕರಿಸುವ ಮೂಲಕ ಶೂದ್ರ ಸಮುದಾಯದ ಸಮಾನತೆಗಾಗಿ ಹೋರಾಟ ನಡೆಸುತ್ತಾನೆ. ಮತ್ತೊಂದೆಡೆ ಸಮಾಜದ ಪ್ರಬಲ ವರ್ಗವಾದ ಪುರೋಹಿತಶಾಹಿಯನ್ನು ಎದುರು ಹಾಕಿಕೊಳ್ಳುತ್ತಾನೆ.

ಈ ಸಂದರ್ಭದಲ್ಲಿ ರಾಜಾಶ್ರಯದಲ್ಲಿದ್ದ ಬಸವಣ್ಣನಿಗೆ ತಳಸಮುದಾಯದ ಪರವಾದ ಹೋರಾಟ ಮಾಡುವುದಕ್ಕೆ ಸ್ವತಂತ್ರ ಅಸ್ತಿತ್ವ ಇರಲಿಲ್ಲ. ಇಲ್ಲಿ ರಾಜನ ಆಜ್ಞೆಯನ್ನು ತಿರಸ್ಕರಿಸಿದರೆ ತನ್ನ ಪದವಿಯನ್ನು ಕಳೆದುಕೊಳ್ಳುವುದು ಮಾತ್ರವಲ್ಲ, ಕಠಿಣ ಶಿಕ್ಷೆಗೂ ಗುರಿಯಾಗಬೇಕಾದ ಸಂಕಷ್ಟದ ದಿನಗಳು ಬಸವಣ್ಣನ ಮುಂದಿದ್ದವು. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ತಾನು ಕಟ್ಟಿದ ಸಮಾನತೆಯ ಆಶಯಹೊತ್ತ ಅನುಭವ ಮಂಟಪವನ್ನು ಸಮಾನ ನೆಲೆಯಲ್ಲಿ ಮುನ್ನಡೆಸಬೇಕಾಗಿತ್ತು. ಇಂತಹ ಚಾರಿತ್ರಿಕ ಒತ್ತಡದ ಪರಿಸ್ಥಿತಿಯಲ್ಲಿನ ಬಸವಣ್ಣನ ಬದುಕನ್ನು ಕುರಿತು ಜನಪದರು ಆತನ ನೋವಿಗೆ ಮಿಡಿಯುತ್ತ ಬಂದಿದ್ದಾರೆ.

ಜಾನಪದವು ಶಿಷ್ಟ ಸಾಹಿತ್ಯ ಪರಂಪರೆಯಂತೆ ಬಸವಣ್ಣನ ಬದುಕನ್ನು ಹಾಗೂ ಆತನ ಹೋರಾಟದ ನೆಲೆಗಳನ್ನು ದೈವಾಂಶ ಸಂಭೂತ ನೆಲೆಯಲ್ಲಿ ವೈಭವಿಕರಿಸುವುದಿಲ್ಲ. ಜನಪದ ಪರಂಪರೆಯಲ್ಲಿ ಯಾವುದೇ ವೈಭವವಿಲ್ಲದೆ ಆತನ ವಾಸ್ತವ ಬದುಕನ್ನು ತಮ್ಮ ಮೌಖಿಕ ಸಾಹಿತ್ಯದಲ್ಲಿ ಅನಾವರಣಗೊಳಿಸುತ್ತಾರೆ. ಜನಪದರು ಬಸವಣ್ಣನನ್ನು ಶಿಷ್ಟ ಸಾಹಿತ್ಯದಿಂದ ರಚನೆಯಾದ ಚರಿತ್ರೆಯ ಮೂಲಕ ಅಧ್ಯಯನ ಮಾಡಿ ಕಂಡುಕೊಂಡವರಲ್ಲ. ಬದಲಾಗಿ ಕಾಲದಿಂದ ಕಾಲಕ್ಕೆ ಹರಿದುಬಂದ ಮೌಖಿಕ ಪರಂಪರೆಯಿಂದ ಆತನನ್ನು ಕಂಡುಕೊಂಡವರು.

ಹೀಗಾಗಿ ಇಲ್ಲಿ ಆತನ ನೋವು ನಲಿವುಗಳನ್ನು ಯಥಾ ಪ್ರಕಾರವಾಗಿ ಮುಂದುವರೆಸಿಕೊಂಡು ಬಂದಿದ್ದಾರೆ. ‘ಯಾರೇನೆಂದರು ನಿನಗೆ ಸದ್ಗುರು ದೇವ’ ಮತ್ತು ‘ಬಾರ ದ್ರೋಹಿರಿ ಮನಗೆ’ ಎಂಬ ನುಡಿಗಳು ಜನಪದರು ಕಂಡುಕೊಂಡಿರುವ ಬಸವ ದರ್ಶನವನ್ನು ಪ್ರತಿನಿಧಿಸುತ್ತವೆ. ಹೀಗಾಗಿ ಶಿಷ್ಟ ಸಾಹಿತ್ಯವು ಕಟ್ಟಿಕೊಡುವ ಚರಿತ್ರೆಗಿಂತ ಭಿನ್ನವಾದ ಚರಿತ್ರೆಯೊಂದು ನಮ್ಮ ಜಾನಪದರ ಬದುಕಿನೊಳಗೆ ಅಂತರ್ಗತವಾಗಿದೆ.

ಜನಪದರು ಬಸವಣ್ಣನ ನೋವು ನಲಿವುಗಳನ್ನು ಸಮಾನ ನೆಲೆಯಲ್ಲಿ ಚಿತ್ರಿಸಿಕೊಂಡು ಬಂದಿದ್ದಾರೆ. ಇಲ್ಲಿ ಆತನ ಕಲ್ಯಾಣ ಹಾಗೂ ಸರಸ ಸಲ್ಲಾಪಗಳು ಮಾನವ ಸಹಜ ನೆಲೆಯಲ್ಲಿ ವ್ಯಕ್ತವಾಗುತ್ತವೆ. ಬಸವಣ್ಣ ಮತ್ತು ಗಂಗಾಭಿಕೆಯ ಕಲ್ಯಾಣದ ಸಂದರ್ಭವನ್ನು ಹಾಗೂ ಅಲ್ಲಿನ ಸಲ್ಲಾಪದ ಕ್ಷಣಗಳನ್ನು ತಮ್ಮ ಬದುಕಿನೊಂದಿಗೆ ಸಮೀಕರಿಸಿಕೊಂಡು ಬಂದಿರುವುದನ್ನು ನಾವು ಜಾನಪದ ಪರಂಪರೆಯಲ್ಲಿ ಮಾತ್ರ ಗುರುತಿಸಬಹುದಾಗಿದೆ.

ಜನಪದರು ನಿರಂತರವಾಗಿ ಕಾಲದಿಂದ ಕಾಲಕ್ಕೆ ತಾವು ಆಚರಿಸಿಕೊಂಡು ಬಂದಿರುವ ಸಂಪ್ರದಾಯ, ಆಚರಣೆ, ಹಾಸ್ಯ, ವಿನೋದವನ್ನು ಬಸವಣ್ಣನ ಕಲ್ಯಾಣದೊಂದಿಗೆ ಸಮೀಕರಿಸಿಕೊಂಡು ಪದ ಕಟ್ಟಿ ಹಾಡುತ್ತಾ ಬಂದಿದ್ದಾರೆ. ಅದು ಓಬಕ್ಕನ ಸೋಬಾನೆ ಪದಗಳಲ್ಲಿ ಹೀಗೆ ವ್ಯಕ್ತವಾಗಿದೆ.

ಗುರುವಿನ ಮನೆಯಾಗೆ
ಅರುವಿನ ಲಯದಾಗೆ
ಅರುವಿನ ಮಂಟಪದ ಮನೆಯಾಗೆ
ಕರುಣ ಕನೆಂದುಕರೆವರು ಸೋಬಾನೆ||
ಬಸವಯ್ಯ ಶ್ರೀಗಂಗೆ
ಕುಶಲದಿಂ ಕರವಿಡಿದು | ಬಸವಣ್ಣ
ಬಂದು ಹಸೆಯಲ್ಲಿ ಕುಳಿತರು ಸೋಬಾನೆ||
ಪದ್ಮಲೋಚನೆ ಗಂಗೆ
ಎದ್ದು ಸೆರಗ ಬಿಗಿದು | ಮುದ್ದು ಬಸವಯ್ಯಗೆ
ಅರಿಶಿಣವ ಧರಿಸ್ಯಾಳೆ ಸೋಬಾನೆ ||
ಗಂಧ ಹಾಕುಸ್ತಿ ಹಿಡುಲಾಗ ಸೋಬಾನೆ
ಗಂಧ ಮೇಲಕ್ಕೆ ಎಳವುತ ಸೋಬಾನೆ
ಅಂದು ಆರುತಿಯಾ ಬೆಳಗುತ ಸೋಬಾನೆ
ಗಂಧ ಮೇಲಕ್ಕೆ ಎಳವುತ ಶ್ರೀಗಂಗೆ
ಬಂದು ಹಸೆಯಲ್ಲಿ ಕುಳಿತಳು ಸೋಬಾನೆ ||
ಬಸವಯ್ಯ ನೀನೊಮ್ಮೆ
ಎಣ್ಣೆ ಅರಿಶಿಣವ ಧರಿಸಪ್ಪ ಸೋಬಾನೆ
ಬಸವಯ್ಯ ಗಂಧ ಹಾಕುಸ್ತಿ ಹಿಡುಲಾಗ
ಅಂದು ಆರುತಿಯಾ ಬೆಳಗುತ
ಬಂದು ಹಸೆಯಲ್ಲಿ ಕುಳಿತರು ಸೋಬಾನೆ ||
ಬಂದು ಹಸೆಯಲ್ಲಿ ಕುಳಿತರು ಬಸವಣ್ಣ
ಸಸಿಮುಖಿಯರೆಲ್ಲ ನಗುತಾರೆ ಸೋಬಾನೆ ||
ಶರ್ತೆಶ ಕೋಟಿಗೆ ವರ್ಕಾಳ ಸಲಹುತ
ನಿತ್ಯಗೆ ಪರಮ ವಿರಕ್ತನಿಗೆ | ಭೂಗಳಿಯ ಕರ್ತನಿಗೆ
ಜೀವ ಕಮ್ಯಾರ್ತನಿಗೆ ಸೋಬಾನೆ
ಇವ ಸದ್ಗುರು ಬಸವದೇವನಿಗೆ ಸೋಬಾನೆ ||
ಅಂತರಂಗನ ಪೇಟೆ ಸಂತೆಗೊಗನ ತಂಗಿ
ಸಿಂತಿಸುತ ಕೊಂಡೆ ರತುನಾವ ಸೋಬಾನೆ ||
ಸಿಂತುಸುತ ಕೊಂಡೆ ರತುನಾದ ಬೆಳಕಿಲಿ
ಕಾಂತೆ ಕೇಳಮ್ಮ ಕೌತುಕವ ಸೋಬಾನೆ ||
ರತುನಾದ ಬೆಳಕಲಿ ಕಾಂತೆ ಕೇಳಮ್ಮ
ಕೌತುಕವ ಶ್ರೀಗುರು ಬಸವಂಗೆ | ಶಿವನ ಕುಮಾರಂಗೆ
ನಾಗಭೂಷಣ ನಮಿತನಿಗೆ ಸೋಬಾನೆ ||
ಸದ್ಗುರು ಬಸವಯ್ಯ ದೇವನಿಗೆ
ಸತ್ಯ ಸದ್ಗುರುವಂಗೆ | ನಿತ್ಯಸುಳ್ಳಾಡಿ ದಿನಗಳಿದೆ
ಮತ್ತುಟ್ಟೊ ಬಾದೆ ಬಿಡದಮ್ಮ ಸೋಬಾನೆ ||

ಪ್ರಸ್ತುತ ದಿನಗಳಲ್ಲಿ ಸ್ಥಾಪಿತ ನೆಲೆಗೆ ತಳ್ಳಿರುವ ಬಸವಣ್ಣನನ್ನು ಒಂದು ಜಾತಿಯ ನಾಯಕನೆಂದು ಬಿಂಬಿಸುವ ಮೂಲಕ ಉಳಿದಂತ ಸಮುದಾಯಗಳು ‘ಇವ ನಮ್ಮವನಲ್ಲ’ ಎನ್ನುವಂತಹ ಸನ್ನಿವೇಶ ನಿರ್ಮಾಣವಾಗಿದೆ. ಇದಕ್ಕೆ ಬಸವಣ್ಣನ ಸುತ್ತ ಸುತ್ತುವರೆದಿರುವ ಮೂಲಭೂತವಾದ ಧೋರಣೆಯು ಪ್ರಮುಖ ಕಾರಣವಾಗಿದೆ. ಈ ಮೂಲಭೂತವಾದಿ ನೆಲೆಗಳು ಜೀವ ತಳೆಯುವುದು ಶಿಷ್ಟ ಸಮುದಾಯದಲ್ಲಿ ಮತ್ತು ಆಧುನಿಕ ಸಂದರ್ಭದ ಶಿಕ್ಷಿತ ಸಮುದಾಯದಲ್ಲಿ. ಆದರೆ ಈ ಅಸಮಾನತೆಯ ಧೋರಣೆಗಳು ಜನಪದರಲ್ಲಿ ವ್ಯಕ್ತವಾಗಿರುವುದು ಕಂಡುಬರುವುದಿಲ್ಲ. ಇದು ಜನಪದರಲ್ಲಿರುವ ವಿಶ್ವಮಾನವ ಪ್ರಜ್ಞೆಯನ್ನು ಅನಾವರಣಗೊಳಿಸುತ್ತದೆ. ಸಮಾಜದ ಒಳಿತಿಗಾಗಿ ನಿಸ್ವಾರ್ಥದಿಂದ ಹೋರಾಡಿದವರು ಯಾರೇ ಆಗಿರಲಿ, ಅವನು ಯಾವುದೇ ಜಾತಿ, ಸಮುದಾಯಕ್ಕೆ ಸೇರಿದ್ದರು ಸಹ ಅವನನ್ನು ತಮ್ಮ ನಾಯಕನೆಂದು, ದೈವವೆಂದು ಆರಾಧಿಸುತ್ತಾರೆ. ಈ ಕಾರಣದಿಂದ ಮೂಲತಃ ಬ್ರಾಹ್ಮಣನಾದ ಶಿವಶರಣ ಬಸವಣ್ಣನನ್ನು ಕೂಡ ಶಿವ ಸ್ವರೂಪಿಯಾಗಿ ಕಂಡುಕೊಡಿದ್ದಾರೆ. ಆತನ ನೋವು ನಲಿವುಗಳನ್ನು ತಮ್ಮ ನೋವು ನಲಿವುಗಳೊಂದಿಗೆ ಸಮೀಕರಿಸಿಕೊಂಡು ಪದಕಟ್ಟಿ ಹಾಡುತ್ತ ಬಂದಿದ್ದಾರೆ.
ಜಾನಪದರು ಸೃಷ್ಟಿಸಿಕೊಂಡು ಬಂದಿರುವ ಈ ಮೇಲಿನ ಹಾಡಿನಲ್ಲಿ ಬಸವಣ್ಣ ಎಲ್ಲಿಯೂ ರಾಜಪ್ರಭುತ್ವದ ಪ್ರತಿನಿಧಿಯಾಗಿ ಕಂಡುಬರುವುದಿಲ್ಲ.

ಜಾನಪದರ ಬದುಕಿನೊಳಗಿನ ಸಾಮಾನ್ಯ ವ್ಯಕ್ತಿಯಾಗಿ ಪ್ರತಿನಿಧಿಸುತ್ತಾನೆ. ಇಲ್ಲಿ ಬಸವಣ್ಣ ಮತ್ತು ಗಂಗಾಬಿಕೆಯರ ಕಲ್ಯಾಣವನ್ನು ಶಿವ ಮತ್ತು ಗಂಗೆಯರೊಂದಿಗೆ ಸಮೀಕರಿಸಿಕೊಂಡು ಬಂದಿದ್ದಾರೆ. ಇದು ಜನಪದ ಪರಂಪರೆಯಲ್ಲಿನ ವಿಶಿಷ್ಟ ದರ್ಶನವಾಗಿ ಕಂಡುಬರುತ್ತದೆ. ಶಿಷ್ಟ ಪರಂಪರೆಯು ಎಲ್ಲವನ್ನು ಹೊಡೆದು ನೋಡುವಂತಹ ಮೂಲಭೂತವಾದಿ ಗುಣಗಳನ್ನು ಸೃಷ್ಟಿಸುತ್ತ ಬಂದಿರುವ ಸಂದರ್ಭದಲ್ಲಿ, ಇದಕ್ಕೆ ಪರ್ಯಾಯವೆಂಬಂತೆ ಜನಪದ ಪರಂಪರೆಯು ಎಲ್ಲವನ್ನು ಸಮೀಕರಿಸಿಕೊಂಡು ಬಂದಿರುವುದನ್ನು ಈ ಪದಗಳಲ್ಲಿ ಗುರುತಿಸಬಹುದಾಗಿದೆ. ಇದು ಶಿಷ್ಟ ಪರಂಪರೆಗೆ ಜನಪದ ಪರಂಪರೆಯು ಒಡ್ಡುತ್ತ ಬಂದಿರುವ ಪ್ರತಿರೋಧದ ನೆಲೆಯೂ ಹೌದು. ಶಿಷ್ಟರು ಅಸಮಾನತೆಯ ವಿರುದ್ಧ ಹೋರಾಡಿದ ಬಸವಣ್ಣನ್ನು ಒಂದು ಜಾತಿ, ಸಮುದಾಯಕ್ಕೆ ಕೇಂದ್ರಿಕರಿಸುವ ಮೂಲಕ ಅನಾರೋಗ್ಯಕರ ಸಮಾಜವನ್ನು ನಿರ್ಮಾಣ ಮಾಡುತ್ತ ಬಂದಿದ್ದಾರೆ. ಆದರೆ ಜನಪದರು ಸಮಾಜ ಸುಧಾರಕ ಬಸವಣ್ಣನನ್ನು ಶಿವನೊಂದಿಗೆ ಸಮೀಕರಿಸುವ ಮೂಲಕ ಗುಪ್ತಗಾಮಿನಿಯಂತೆ ಆರೋಗ್ಯಕರವಾದ ಸಮಾಜವನ್ನು ಕಟ್ಟುತ್ತ ಬಂದಿದ್ದಾರೆ. ಹೀಗಾಗಿಯೆ ಇಂದಿಗೂ ಬಸವಣ್ಣ ತಳಸಮುದಾಯದ ಜನತೆಯ ಅಂತರಾಳದಲ್ಲಿ ನೆಲೆಯೂರಿದ್ದಾನೆ.

ಇದೇ ಪದ (ಹಾಡು) ದಲ್ಲಿ ಕೊನೆಯದಾಗಿ ಕಂಡುಬರುವ ಸಾಲು ಜನಪದರ ಸ್ವಾಮಿ ನಿಷ್ಠೆಯನ್ನು ಎತ್ತಿಹಿಡಿಯುತ್ತದೆ. ‘ಸತ್ಯ ಸದ್ಗುರುವಂಗೆ ನಿತ್ಯಸುಳ್ಳಾಡಿ ದಿನಗಳಿದೆ ಮತ್ತುಟ್ಟೊ ಬಾದೆ ಬಿಡದಮ್ಮ ಸೋಬಾನೆ’ ಎಂಬುದು ಇವರ ಸ್ವಾಮಿನಿಷ್ಠೆಯ ಪ್ರತೀಕವಾಗಿದೆ. ಈ ನಿಷ್ಠೆಯಿಂದಾಗಿಯೇ ತಳಸಮುದಾಯವು ಮೂಲಭೂತವಾದಿಗಳು ತಮ್ಮ ಅನುಕೂಲಕ್ಕಾಗಿ ಸೃಷ್ಠಿಸಿರುವ ಕಪಟ ತಂತ್ರಗಳನ್ನು ತಮ್ಮ ಬದುಕಿನ ಭಾಗವೆಂಬಂತೆ ಅನಿವಾರ್ಯವಾಗಿ ಮುಂದುವರೆಸಿಕೊಂಡು ಬಂದಿದ್ದಾರೆ.

ಬಸವಣ್ಣನ ವಿಚಾರಗಳನ್ನು ಮೀರಿದರೆ, ಆತನ ತತ್ವ ಚಿಂತನೆಗಳಿಗೆ ವಿರುದ್ಧವಾಗಿ ನಡೆದುಕೊಂಡರೆ ಮುಂದಿನ ಜನ್ಮದಲ್ಲೂ ಇದೇ ನರಕವನ್ನು ಅನುಭವಿಸಬೇಕಾಗುತ್ತದೆ ಎಂಬುದು ಇವರ ನಂಬಿಕೆಯಾಗಿದೆ. ಹೀಗಾಗಿಯೇ ಬಸವಣ್ಣನ ಮೂಲ ತತ್ವ ಸಿದ್ಧಾಂತಗಳು ಇಂದಿಗೂ ಜೀವಂತಿಕೆಯನ್ನು ಪಡೆದುಕೊಂಡಿದ್ದು, ಇವನ್ನು ತಮ್ಮ ಬದುಕಿನ ಒಂದು ಭಾಗವೆಂಬಂತೆ ಮುಂದುವರೆಸಿಕೊಂಡು ಬಂದಿದ್ದಾರೆ.

ಆದರೆ ಮೂಲಭೂತವಾದಿ ಮನಸ್ಥಿತಿಗಳು ಬಸವಣ್ಣನ ವಿಚಾರಧಾರೆಗಳನ್ನು ತೊಡೆದುಹಾಕಿ, ಆತನ ಪ್ರತಿಮೆಯ ಮೂಲಕವೇ ಮೂಲಭೂತವಾದ ಧರ್ಮವೊಂದನ್ನು ಪ್ರತಿಷ್ಠಾಪಿಸಿಕೊಂಡು ರಾಜರೋಷವಾಗಿ ವೈಚಾರಿಕತೆಯ ಹರಿಕಾರನಾದ ಬಸವಣ್ಣನಿಗೆ ಅಪಮಾನವೆಸಗುತ್ತಿದ್ದಾರೆ. ಇಲ್ಲಿ ಜನಪದರು ಬಸವನಿಗೆ ಸುಳ್ಳಾಡಿದರೆ, ತಪ್ಪಾಗಿ ನಡೆದುಕೊಂಡರೆ ನಮಗೆ ಶಿಕ್ಷೆ ತಪ್ಪಿದ್ದಲ್ಲ ಎಂಬುದಾಗಿ ತಮ್ಮೆಲ್ಲ ಕಾರ್ಯಗಳನ್ನು ಆತ್ಮವಿಮರ್ಶೆ ಮಾಡಿಕೊಂಡರೆ, ಶಿಷ್ಟ ಸಮುದಾಯವು ತಾವು ಮಾಡುತ್ತಿರುವ ಕಾರ್ಯ ಬಸವನಿಗೆ ಸಂಪೂರ್ಣ ವಿರುದ್ಧವಾದುದೆಂದು ತಿಳಿದಿದ್ದರೂ ಇವರೆಲ್ಲಿಯೂ ಇಂತಹ ಆತ್ಮವಿಮರ್ಶೆಗೆ ಮುಂದಾಗಿರುವ ನಿದರ್ಶನಗಳು ಚರಿತ್ರೆಯಲ್ಲಾಗಲಿ, ಇವರ ಧರ್ಮಗ್ರಂಥ, ಪುರಾಣಗಳಲ್ಲಾಗಲಿ ಕಂಡುಬರುವುದಿಲ್ಲ. ಇದು ಜನಪದರು ಕಂಡುಕೊಂಡಿರುವ ಬಸವದರ್ಶನ, ಹಾಗೆಯೇ ಅವರ ಜೀವನ ದರ್ಶನವಾಗಿದೆ.

ಜನಪದರು ಅಕ್ಷರ ವಂಚಿರಾದರೂ ಲೋಕಜ್ಞಾನವನ್ನು ದಾರ್ಶನಿಕ ನೆಲೆಯಲ್ಲಿ ಅರಿತುಕೊಂಡವರು. ಇಲ್ಲಿನ ಹಾಡಿನಲ್ಲಿ ಕಂಡುಬರುವಂತೆ ಬಸವಣ್ಣನು ಬಿಜ್ಜಳನ ಆಸ್ಥಾನದಲ್ಲಿ ಆರ್ಥಿಕ ಮಂತ್ರಿಯಾಗಿದ್ದ ವಾಸ್ತವವನ್ನು ಅರಿತುಕೊಂಡಿದ್ದಾರೆ. ಆದರೆ ಈ ಸತ್ಯ ಜನಪದರಿಗೆ ತಿಳಿದಿದ್ದಾದರೂ ಹೇಗೆ ಎಂಬ ಅನುಮಾನ ಕಾಡುತ್ತದೆ. ಅಷ್ಟೇ ಅಲ್ಲದೆ ಇವರು ಬಸವಣ್ಣನನ್ನು ಕೇವಲ ಮಂತ್ರಿಯಾಗಿ ನೋಡುವುದಿಲ್ಲ. ಬಸವಣ್ಣನನ್ನು ಅಧಿಕಾರದ ನೆಲೆಯಲ್ಲಿ ನೋಡದೆ ಸಮಾನತೆಯನ್ನು ಸಾರಿದ ಕ್ರಾಂತಿ ಪುರುಷನಾಗಿ ನೋಡುತ್ತಾರೆ. ಹೀಗಾಗಿಯೇ ಇಲ್ಲಿ ಬಸವಣ್ಣನನ್ನು ಕುರಿತು ವಣ ್ಸುವಾಗ ‘ಗುರುವಿನ ಮನೆಯಾಗೆ ಅರುವಿನ ಲಯದಾಗೆ, ಅರುವಿ ಮಂಟಪದ ಮನೆಯಾಗೆ ಕರುಣ ಕನೆಂದು ಕರೆವರು’ ಎಂಬುದಾಗಿ ಆತನ ಬದುಕಿನ ಚಿತ್ರಣವನ್ನು ಕಟ್ಟಿಕೊಡುತ್ತಾರೆ. ಈ ಮಂತ್ರಿಯಾದ ಬಸವಣ್ಣನನ್ನು ತಮ್ಮ ಬದುಕಿಗೆ ಹತ್ತಿರವಾದ ನೆಲೆಯಲ್ಲಿ ಜನಪದರು ಸೃಷ್ಟಿಸಿಕೊಂಡಿದ್ದಾರೆ. ಗುರುವಿನ ಮನೆ ಮತ್ತು ಅರುವಿನ ಲಯ ಎಂಬ ಜನಪದರ ಪರಿಕಲ್ಪನೆಯು ಅನುಭವ ಮಂಟಪದ ಕುರಿತಾಗಿದೆ. ಜನಪದರಿಗೆ ಅನುಭವ ಮಂಟಪವು ಗುರುವಿನ ಮನೆಯಷ್ಟೆ ಅಲ್ಲದೆ ಅರಿವಿನ ತಾಣವು ಹೌದು. ಈ ಸೃಷ್ಟಿಯು ನಾವು ಲಿಖಿತ ಚಾರಿತ್ರಿಕ ದಾಖಲೆಗಳಾದ ವಚನಗಳು ಹಾಗೂ ಶಾಸನಗಳಲ್ಲಿ ಬಸವಣ್ಣನನ್ನು ನೋಡಿರುವುದಕ್ಕಿಂತ ಭಿನ್ನವಾದ ಬಸವ ದರ್ಶನವು ಜನಪದರಲ್ಲಿ ಕಂಡುಬರುತ್ತದೆ.

ಚಿನ್ನದ ಸಿಂಬೆಯ ಸುತ್ತಿ ರನ್ನದ ಕೊಡವ ತಗುದೆ
ಜಲದಿ ಲಗ್ಣಿಯ ಮಗುವಳೆ ಸೋಬಾನೆ ||
ಜಲದಿ ಲಗ್ಣಿಯ ಮಗುವ ಶರಣ ಯ ಕಂಡೆ
ಶಿವಶರಣರು ಜಪವ ಮರೆತಾರೆ ಸೋಬಾನೆ ||
ಶಿವಶರಣರು ಜಪವಿನ್ನು ಮರೆತು ಕೇಳ್ಯಾರೆ
ಯಾವ ಜಂಗಮರ ಮಗಳಮ್ಮ ಸೋಬಾನೆ ||
ಜಂಗಮರ ಸೊಸಿಯಯ್ಯ ಲಿಂಗ ಉಳ್ಳರು ಮಗಳು
ಬಿಂಗಿಬ್ರಹ್ಮನ ಕಿರಿ ತಂಗಿ ಸೋಬಾನೆ ||
ಬಿಂಗಿನೇ ಬ್ರಹ್ಮರ ಕಿರಿ ತಂಗಿ ಗುರುಗಳೇ
ನೀವ್ ಬನ್ನಿರಿ ನಮ್ಮ ಅರಮನೀಗೆ ಸೋಬಾನೆ ||
ಲಿಂಗೇನ ಉಳ್ಳರೇ ನಿಜವುಳ್ಳ ಭಕ್ತರೇ
ಸಂಗಮನಯ್ಯ ಬಸವಣ್ಣ ಸೋಬಾನೆ ||
ಸಂಗುಮನಯ್ಯ ಬಸವಣ್ಣ ಮೂವರೇ
ಬಂದಾರು ಗಿರಿರಾಜರ ಅರಮನೆಗೆ ಸೋಬಾನೆ ||
ಎಂದು ಬರದ ಬಸವಣ್ಣ ಈಗ್ಯಾಕೆ ಬಂದ್ಯಪ್ಪ
ಕುಂದಾರಗೊಳ್ಳ ಮಣ ಗೊಳ್ಳ ಸೋಬಾನೆ ||
ಕುಂದ್ರಾಕೆ ಬಂದಿಲ್ಲ ನಿದ್ರಾಕೆ ಬಂದಿಲ್ಲ
ಸಣ್ಣಳು ಗಿರಿಜಮ್ಮನ ಕೇಳಾ ಬಂದೆ ಸೋಬಾನೆ ||
ತುಪ್ಪನ್ನ ಉಣ್ಣವಳೆ ಪಟ್ಟೆಸೀರೆ ಉಡುವೋಳೆ
ಪಟ್ಟೆ ಮಂಚುದುಲೆ ಮಲಗೋಳೆ ಸೋಬಾನೆ ||
ಪಟ್ಟೇನೆ ಮಂಚುದುಲೇ ಮಲಗುವಳೆ ಗಿರಿಜಮ್ಮ
ಚಿಕ್ಕೊಳು ಗಿರಿಜಮುನ ಕೊಡುಲಾರೆ ಸೋಬಾನೆ ||
ಹಾಲನ್ನ ಉಣ್ಣವಳೇ ಸಾಗಿಸೀರುಡುವೋಳೆ
ಸಾಮ ಮಂಚುದುಲೆ ಮಲಗೋಳೆ ಸೋಬಾನೆ ||
ಸಾಮೇನೆ ಮಂಚುದುಲೆ ಮಲಗೋಳೆ ಗಿರಿಜಮ್ಮ
ಸಣ್ಣಳು ಗಿರಿಜಮುನ ಕೊಡುಲಾರೆ ಸೋಬಾನೆ ||
ಹಟ್ಯಾಗೆ ಗಿರಿಜಮ್ಮ ಕುಟ್ಟುತೇನ್ ಪಾಡ್ಯಾಳೆ
ಅಪ್ಪೋಜಿ ನನ್ನ ಕೊಡುತಾರೆ ಸೋಬಾನೆ ||
ಅಪ್ಪೋಜಿ ನನ್ನ ಕೊಡುತಾರೆ ಕೈಲಾಸದ
ಎಪ್ಪತ್ತೊಂದ್ ಜಡಿಯ ತ್ರಬಸಿಗೆ ಸೋಬಾನೆ ||
ಒಣ್ಯಾಗೆ ಗಿರಿಜಮ್ಮ ಹಾಡುತೇನ್ ಪಾಡ್ಯಾಳೆ
ಅಣ್ಣೋಜಿ ನನ್ನ ಕೊಡುತಾರೆ ಸೋಬಾನೆ ||
ಅಣ್ಣೋಜಿ ನನ್ನ ಕೊಡುತಾರೆ ಕೈಲಾಸದ
ಹನ್ನೊಂದೇ ಜಡೆಯ ತ್ರಬಸಿಗೆ ಸೋಬಾನೆ ||
ಊರಾಗೆ ಮನೆಯಿಲ್ಲ ಅಡುವ್ಯಾಗೆ ಹೊಲವಿಲ್ಲ
ಎತ್ತ ಕಟ್ಟುವರ ಅರಮನೆ ಸೋಬಾನೆ ||
ಎತ್ತೇನೆ ಕಟ್ಟುವ್ರ ಅರಮನೆ ಗಿರಿಜಮ್ಮ
ಅವ್ರನ ನೀನು ಭ್ರಮಿಸಿದ ಸೋಬಾನೆ ||
ಹೋಳಿಗೆ ಕರ್ಜಿಕಾಯಿ ಜೋಳಿ ತುಂಬೈದಾವೆ
ಹೋಳಿಗೆ ಮೂರುಲೋಕ ಸಲುವೈದಾವೆ ಸೋಬಾನೆ ||
ಹೋಳಿಗೆ ಮೂರುಲೋಕ ಸಲುವ್ಯಾವೆ ಕೈಲಾಸದ
ಮುಕ್ಕಣ್ಣ ನೀನು ಜರುದಿಯೋ ಸೋಬಾನೆ ||
ಚಕ್ಕುಲಿ ಕರ್ಜಿಕಾಯಿ ಕಕ್ಕುಸುತುಂಬೈದಾವೆ
ಕಕ್ಕುಸು ಮೂರುಲೋಕ ಸಲಿವ್ಯಾವೆ ಸೋಬಾನೆ ||
ಕಕ್ಕಸ ಮೂರುಲೋಕ ಸಲುವ್ಯಾವೆ ಕೈಲಾಸದ
ಮಾದೇವ್ರು ನೀನು ಜರುದಿಯೋ ಸೋಬಾನೆ ||
ಚಿನ್ನದ ಸರ ಹರಿದಿರಿ ಕೆನ್ನೆಮೇಲ್ ಹೊಡದೀರಿ
ಬಿಟ್ಟು ಬನ್ನಿ ಗಿರಿಜೆ ಗಿರಿದೂರ ಸೋಬಾನೆ ||
ಮುತ್ತಿನ ಸರ ಹರಿದಿರಿ ನೆತ್ತಿಮ್ಯಾಲ್ ಹೊಡದೀರಿ
ಬಿಟ್ಟು ಬನ್ನಿ ಗಿರಿಜೆ ಗಿರಿದೂರ ಸೋಬಾನೆ ||

ಈ ಹಿಂದೆ ತಿಳಿಸಿದಂತೆ ಜಾನಪದರು ಶಿವ ಮತ್ತು ಬಸವಣ್ಣನನ್ನು ಬೇರೆ ಬೇರೆಯಾಗಿ ನೋಡುವುದಿಲ್ಲ. ಇವರಿಬ್ಬರನ್ನು ಒಂದೆಯಾಗಿ ಸ್ವೀಕರಿಸಿದ್ದಾರೆ. ಶಿವ, ಬಸವಣ್ಣ ಹಾಗೂ ಗಿರಿಜೆಯ ಪ್ರಸ್ತಾಪವಿರುವ ಈ ಹಾಡಿನಲ್ಲಿ ಶಿವಶರಣನಾದ ಬಸವಣ್ಣನನ್ನು ಶಿವ ಸ್ವರೂಪಿಯಾಗಿಸಿರುವುದನ್ನು ಕಾಣಬಹುದಾಗಿದೆ. ಮಾನವನ ಸಹಜ ಬದುಕಿನ ನೆಲೆಯಲ್ಲಿ ಚಿತ್ರಿತವಾಗಿರುವ ಬಸವನನ್ನು ಜಾನಪದ ಪರಂಪರೆಯಲ್ಲಿ ಗುರುತಿಸಬಹುದಾಗಿದೆ. ಶಿವ ಮತ್ತು ದಕ್ಷಬ್ರಹ್ಮರ ಕಥೆಯನ್ನು ಹೋಲುವ ಈ ಜಾನಪದ ಹಾಡಿನಲ್ಲಿ ಬಸವನನ್ನು ಸಮೀಕರಿಸಿಕೊಂಡು ಬಂದಿದ್ದಾರೆ. ಇಲ್ಲಿ ಶಿವ ಪಾರ್ವತಿಯರ ವೈವಾಹಿಕ ಜೀವನಕ್ಕೆ ಸಂಬಂಧಿಸಿದ ಚಿತ್ರಣಗಳನ್ನು ಅನಾವರಣಗೊಳಿಸುವ ಸಂದರ್ಭದಲ್ಲಿ ಬಸವಣ್ಣನ್ನು ಸಮೀಕರಿಸಿಕೊಂಡಿರುವ ಬಗೆಯು ವಿಶೇಷವಾಗಿ ಕಂಡುಬರುತ್ತದೆ. ಇದು ಜಾನಪದ ಬದುಕಿನ ದಾರ್ಶನಿಕ ಆಯಾಮವಾಗಿ ಕಂಡುಬರುತ್ತದೆ.
ಜಾನಪದ ಬದುಕಿನಲ್ಲಿ ದರ್ಶನಗೊಳ್ಳುವ ಬಸವಣ್ಣ ಯಾವುದೇ ಜಾತಿ, ಮತ, ಪಂಥಕ್ಕೆ ಸೀಮಿತವಾಗುವುದಿಲ್ಲ. ಇಲ್ಲಿ ಇವನೊಬ್ಬ ವಿಶ್ವಮಾನವನಾಗಿ ಮುಖಾಮುಖಿಯಾಗುತ್ತಾನೆ. ನಾವು ಹೀಗಾಗಲೇ ಓದಿ ತಿಳಿದಿರುವ ಬಸವಣ್ಣನಿಗಿಂತ ಭಿನ್ನವಾದ ಬಸವಣ್ಣ ನಮ್ಮ ಮೌಖಿಕ ಪರಂಪರೆಯಲ್ಲಿ ಕಂಡುಬರುತ್ತಾನೆ. ನಮ್ಮ ಲಿಖಿತ ಪಠ್ಯ, ಶಾಸನ ಹಾಗೂ ಚರಿತ್ರೆಯ ಗ್ರಂಥಗಳು ಬಸವಣ್ಣನನ್ನು ಒಬ್ಬ ಮಂತ್ರಿಯಾಗಿ, ಯುದ್ದ, ಹೋರಾಟದ ಭಾಗವಾಗಿ ಮಾತ್ರ ಪರಿಚಯಿಸುತ್ತವೆ. ಆದರೆ ಅದರಾಚೆಗಿನ ಮಾನವ ಸಹಜವಾದ ಬಸವಣ್ಣನನ್ನು ನಾವು ಈ ಪ್ರಕಾರಗಳಲ್ಲಿ ನೋಡಲು ಸಾಧ್ಯವೇ ಇಲ್ಲ. ಆದರೆ ಮೌಖಿಕ ಪ್ರಕಾರದಲ್ಲಿ ಬಸವಣ್ಣ ರಾಜಪ್ರಭುತ್ವದಿಂದ ಹೊರಬಂದು ಮಾನವ ಸಹಜ ನೆಲೆಯಲ್ಲಿ ಕಂಡುಬರುತ್ತಾನೆ. ಜನಪದ ಪರಂಪರೆಯಲ್ಲಿ ಕಂಡುಬರುವ ಈ ಮಾನವ ಸಹಜ ಬಸವ ದರ್ಶನಕ್ಕೆ ಕಾರಣವೂ ಇದೆ. ಜನಪದ ಬದುಕು ಪ್ರಕೃತಿ ಸಹಜವಾಗಿರುವಂತದ್ದು. ಇಲ್ಲಿ ಯಾರು ರಾಜನಾದರೇನು ಸಾಮಾನ್ಯ ಜನತೆಗೆ ಇದರಿಂದ ಯಾವುದೇ ಪ್ರಯೋಜನವಾಗಿರುವುದು ಕಂಡುಬರುವುದಿಲ್ಲ. ಗ್ರಾಮೀಣ ಭಾಗದಲ್ಲಿ ಒಂದು ಗಾದೆ ಮಾತಿದೆ; ‘ಯಾರು ಮಂತ್ರಿಯಾದರೇನು ರಾಗಿ ಬೀಸುವುದು ತಪ್ಪುವುದಿಲ್ಲ’, ಹಾಗೆಯೇ ‘ರಾಮರಾಜ್ಯದಲ್ಲೂ ರಾಗಿ ಬೀಸುವುದು ತಪ್ಪಿದ್ದಲ್ಲ’ ಎಂಬ ಗಾದೆಮಾತುಗಳು ಸಾಮಾನ್ಯ ಜನತೆಯ ಬದುಕಿನ ಸ್ಥಿತಿಯನ್ನು ಪ್ರತಿನಿಧಿಸುತ್ತದೆ. ಅದರಂತೆ ಜಾನಪದರಿಗೆ ರಾಜಪ್ರಭುತ್ವ ಮುಖ್ಯವಾಗುವುದಿಲ್ಲ. ಸಾಮಾನ್ಯ ಜನತೆಯ ಪರವಾಗಿ ಹೋರಾಡಿದ ಸಾಂಸ್ಕøತಿಕ ನಾಯಕ ಮುಖ್ಯವಾಗುತ್ತಾನೆ. ಈ ಕಾರಣದಿಂದಾಗಿಯೇ ನಮ್ಮ ಜನಪದರು ಮಲೆಮಾದೇಶ್ವರ, ಮಂಟೇಸ್ವಾಮಿ, ಜುಂಜಪ್ಪ, ಗಾದ್ರಿಪಾಲನಾಯಕ, ಕುಮಾರ ರಾಮರಂತಹ ಸಾಂಸ್ಕøತಿಕ ನಾಯಕರನ್ನು ಸ್ಮರಿಸುತ್ತ ಬಂದಿದ್ದಾರೆಯೇ ಹೊರತು ರಾಜ್ಯಭಾರ ಮಾಡಿದ ಬಿಜ್ಜಳ, ಕೃಷ್ಣದೇವರಾಯರಂತಹ ರಾಜರನ್ನು ಮುಖ್ಯವೆಂದು ಪರಿಗಣ ಸಿರುವುದು ಕಂಡುಬರುವುದಿಲ್ಲ. ಈ ಕಾರಣದಿಂದಾಗಿಯೇ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದ ಬಸವಣ್ಣನಿಗಿಂತ ಮುಖ್ಯವಾಗಿ ಸಾಮಾಜಿಕ ಸಮಾನತೆಗಾಗಿ ಶ್ರಮಿಸಿದ ಮಾನವ ಸಹಜ ವ್ಯಕ್ತಿಯಾದ ಬಸವಣ್ಣನನ್ನು ಆರಾಧಿಸುತ್ತ ಬಂದಿದ್ದಾರೆ.
ಶಿಷ್ಟ ಪರಂಪರೆಯು ಬಸವಣ್ಣನನ್ನು ರಾಜಪ್ರಭುತ್ವದ ಒಂದು ಭಾಗವಾಗಿಯೇ ಚಿತ್ರಿಸಿಕೊಂಡು ಬಂದಿದೆ. ಇವರಿಗೆ ಮಾನವ ಸಹಜವಾದ ಬಸವ ಮುಖ್ಯವಾಗುವುದಿಲ್ಲ.

ಅಷ್ಟೇ ಅಲ್ಲದೇ ಈ ಶಿಷ್ಟ ಪ್ರಕಾರವು ಬಸವನನ್ನು ಜಾತಿ, ಮತ, ಪಂಥಗಳಾಚೆ ಹೋಗಲು ಬಿಡುವುದಿಲ್ಲ. ಜಾತಿ, ಮತ, ಪಂಥಗಳನ್ನು ಮೀರಿ ಸಮಾಜದ ಸುಧಾರಣೆಗಾಗಿ ಶ್ರಮಿಸಿದ ಬಸವನನ್ನು ಬಲವಂತವಾಗಿ ಸ್ಥಾಪಿತ ವ್ಯವಸ್ಥೆಯ ಅಡಿಯಲ್ಲಿ ಬಂಧಿಸುವ ತಂತ್ರಗಾರಿಕೆ ಶಿಷ್ಟ ಸಾಹಿತ್ಯದ ಒಂದು ಭಾಗವಾಗಿ ಕಂಡುಬರುತ್ತದೆ. ಆದರೆ ಬಸವಣ್ಣನ ಮೂಲ ಆಶಯಗಳು ಮಾತ್ರ ಜಾನಪದ ಬದುಕಿನೊಳಗೆ ಯಥಾ ಪ್ರಕಾರವಾಗಿ ಮುಂದುವರೆದಿವೆ. ಬಸವ ಇನ್ನು ಜೀವಂತವಾಗಿರುವುದಾದರೆ ಅದು ಜಾನಪದರ ಬದುಕಿನಲ್ಲಿ ಮಾತ್ರ ಎಂಬುದನ್ನು ಈ ಮೇಲೆ ಉಲ್ಲೇಖಿಸಿರುವ ಸೋಬಾನೆ ಹಾಡುಗಳಲ್ಲಿ ಗುರುತಿಸಬಹುದಾಗಿದೆ.

( ಲೇಖಕರು: ಕೆ.ಎ.ಓಬಳೆಶ್, ಸಂಶೋಧನ ವಿದ್ಯಾರ್ಥಿ, ಕನ್ನಡ ಸಾಹಿತ್ಯ ಅಧ್ಯಯನ ವಿಭಾಗ ಕನ್ನಡ ವಿಶ್ವವಿದ್ಯಾಲಯ, ಹಂಪಿ)

ಡಾ.ಕೆ.ಎ ಓಬಳೇಶ್ ಅವರು ಕುವೆಂಪು ವಿಶ್ವವಿದ್ಯಾಲಯದಿಂದ ಕನ್ನಡ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಐದು ಚಿನ್ನದ ಪದಕ ಹಾಗೂ ನಾಲ್ಕು ನಗದು ಬಹುಮಾನಗಳೊಂದಿಗೆ ಪಡೆದುಕೊಂಡು, ಚಿನ್ನದ ಹುಡುಗ ಎಂಬ ಕೀರ್ತಿಯನ್ನು ಕುವೆಂಪು ವಿಶ್ವವಿದ್ಯಾಲಯದಿಂದ ಪಡೆದುಕೊಂಡಿರುತ್ತಾರೆ. ಮೂರು ವರ್ಷಗಳ ಕಾಲ ದಾವಣಗೆರೆಯ ವಿವಿಧ ಪದವಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆಯನ್ನು ಸಲ್ಲಿಸಿರುತ್ತಾರೆ. ನಂತರದಲ್ಲಿ ಕನ್ನಡ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿಯನ್ನು ಪಡೆದ ಇವರು, ಇದೇ ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿರುತ್ತಾರೆ. ಸಂಶೋಧನೆ ಹಾಗೂ ಬರವಣಿಗೆಯಲ್ಲಿ ಆಸಕ್ತಿಯುಳ್ಳ ಇವರು ಸುಮಾರು ಮೂರು ವರ್ಷಗಳಿಂದ ವಿವಿಧ ಪತ್ರಕೆಗಳಲ್ಲಿ ತಮ್ಮ ಲೇಖನಗಳನ್ನು ಪ್ರಕಟಿಸುತ್ತ ಬಂದಿರುತ್ತಾರೆ. ಭೀಮವಾದ ಮಾಸ ಪತ್ರಿಕೆಯಲ್ಲಿ ದಲಿತ ಹೋರಾಟ ಕಥನ ಎಂಬ ಅಂಕಣವನ್ನು ಸತತವಾಗಿ ಮೂರು ವರ್ಷಗಳಿಂದ ಮುಂದುವರೆಸಿಕೊಂಡು ಬಂದಿರುತ್ತಾರೆ. ಸಾಹಿತ್ಯ ಕ್ಷೇತ್ರದಲ್ಲಿ ಆಸಕ್ತಿಯುಳ್ಳ ಇವರು 'ಅಸ್ಮಿತೆ ಮತ್ತು ಆತ್ಮವಿಮರ್ಶೆ' ಎಂಬ ಕೃತಿಯನ್ನು ಹಾಗೂ 'ವಿವೇಕಯಾನ' ಎಂಬ ನಾಟಕವನ್ನು ರಚಿಸಿರುತ್ತಾರೆ. ವಿವೇಕಯಾನ ನಾಟಕ ಕೃತಿಯು ನಾಟಕ ಅಕಾಡೆಮಿಯ ಪ್ರಶಸ್ತಿಗೆ ಭಾಜನವಾಗಿರುತ್ತದೆ. ಕಾವ್ಯ ರಚನೆಯಲ್ಲಿಯು ಆಸಕ್ತಿಯನ್ನು ಹೊಂದಿರುವ ಇವರಿಗೆ ೨೦೧೪ರಲ್ಲಿ 'ಸಾಹಿತ್ಯ ಸಿರಿ' ರಾಜ್ಯ ಪ್ರಶಸ್ತಿಯು ಲಭಿಸಿರುತ್ತದೆ. ಇಮೇಲ್: eakantagiri@gmail.com. ಮೊ: 9538345639/ 9591420216 )

ಅಂಕಣ

ಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ

Published

on

~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ

ಅಂಬೇಡ್ಕರ್ ಅವರು ಭಾರತದ ಚರಿತ್ರೆಗಳ ರಚನೆಗೆ ಪ್ರಾಯೋಗಿಕ ಉಪಕರಣಗಳನ್ನು (ಎಂಪರಿಕಲ್ ಟೂಲ್ಸ್) ಬಳಸಿರುತ್ತಾರೆ. ಆದರೆ ಈ ಎಲ್ಲ ಉಪಕರಣಗಳು ಕೇವಲ ಚರಿತ್ರೆಯ ರಚನೆಗೆ ಮಾತ್ರ ಕಾರಣವಾಗದೆ, ಸಮೂಹಗಳ ಸಾಮಾಜಿಕ-ರಾಜಕೀಯ ಸಮಾನತೆ, ಸ್ವಾಯತ್ತತೆಯನ್ನೂ ಕಲ್ಪಿಸುವುದಕ್ಕೂ ಬದ್ಧವಾಗಿರುತ್ತವೆ. ಆರ್ಥಿಕತೆಯ ನಿಲುವುಗಳ ಮೂಲಕ ಭಾರತದ ಚರಿತ್ರೆಯನ್ನು ವ್ಯಾಖ್ಯಾನಿಸುವ ಕ್ರಮಗಳನ್ನು ಅಂಬೇಡ್ಕರ್ ಅವರು ಅತ್ಯಂತ ಕಟುವಾಗಿಯೇ ವಿಮರ್ಶಿಸುತ್ತಾರೆ.

ಸಮಾಜವಾದಿಗಳು ಮತ್ತು ಮಾರ್ಕ್ಸ್ವಾದಿಗಳು ಆರ್ಥಿಕತೆಯ ನೆಲೆಯಿಂದ ಭಾರತದಲ್ಲಿ ಚರಿತ್ರೆಗಳನ್ನು ನಿರ್ವಚಿಸುವ ಪ್ರಯತ್ನವನ್ನು ಮಾಡಿರುತ್ತಾರೆ ಎನ್ನುವುದನ್ನು ಇಲ್ಲಿ ಗಮನಿಸಬಹುದು. ಭಾರತದ ಚರಿತ್ರೆಗಳಲ್ಲಿ ದಾಖಲಾಗಿರುವ ಯಾವುದೇ ರಾಜಕೀಯ ಕ್ರಾಂತಿ/ಹೋರಾಟಗಳು ಯಾವಾಗಲೂ ಸಾಮಾಜಿಕ-ಧಾರ್ಮಿಕ ಕ್ರಾಂತಿಗಳಿಂದ ಮಾತ್ರ ಕೂಡಿರುವುದನ್ನೂ ಅಂಬೇಡ್ಕರ್ ಅವರು ಇಲ್ಲಿ ಗುರುತಿಸುತ್ತಾರೆ. ಭಾರತದಲ್ಲಿ ಅಷ್ಟೆಯಲ್ಲ, ಅಮೆರಿಕ, ಯುರೋಪ್, ಅರೇಬಿಯಾ ದೇಶಗಳಲ್ಲಿಯೂ ಇದೇ ಬಗೆಯ ಚರಿತ್ರೆಯ ನಿರ್ಮಾಣವು ನಡೆದಿರುವುದನ್ನು ನೋಡುತ್ತೇವೆ. ಮತ್ತು ಶಿವಾಜಿ, ಚಂದ್ರಗುಪ್ತ ಮೌರ್ಯ, ಸಿಖ್ ರಾಜ್ಯಗಳ ರಾಜರುಗಳಿಂದ ಕೈಗೊಳ್ಳಲಾದ ರಾಜಕೀಯ ಕ್ರಾಂತಿಗಳು, ಬುದ್ಧ, ಗುರು ನಾನಕ್ ಹಾಗೂ ಇತರ ಸಾಧು ಸಂತರ ಸಾಮಾಜಿಕ, ಧಾರ್ಮಿಕ ಚಳವಳಿಗಳ ಮೂಲಕ ಕಂಡಿರುತ್ತೇವೆ.

ಆದರೆ ಪರಿಣಾಮಗಳಲ್ಲಿ ಅಗಾಧವಾದ ವ್ಯತ್ಯಾಸಗಳನ್ನೂ ನಾವು ಇವತ್ತು ಕಾಣುತ್ತೇವೆ ಹಾಗೂ ಭಾರತದ ಚರಿತ್ರೆಗಳನ್ನು ಕುರಿತು ಬ್ರಿಟಿಶರು ತಾಳಿರುವ ಧೋರಣೆಗಳು ಅತ್ಯಂತ ದೋಷಪೂರಿತ ನೆಲೆಗಳಿಂದ ಕೂಡಿದ್ದವು ಎಂಬುದನ್ನು ಅಂಬೇಡ್ಕರ್ ಅವರು ಅತ್ಯಂತ ಬಲವಾಗಿ ನಂಬಿದ್ದರು. ಮತ್ತು ಅವುಗಳನ್ನು ಬಿಡಿಸಿ ತೋರಿಸುವುದಕ್ಕೆ ಬೇಕಾದ ಪರಿಕರಗಳನ್ನೂ ತಮ್ಮ ಅಧ್ಯಯನಗಳ ಮೂಲಕ ರೂಪಿಸಿರುತ್ತಾರೆ.

ಭಿನ್ನ ಸಂವೇದನೆಯ ಮೂಲಕ ಭಾರತವನ್ನು ಗ್ರಹಿಸಿದ ಅಂಬೇಡ್ಕರ್ ಚಿಂತನೆಗಳು ಹಾಗೂ ಸಾಮಾಜಿಕವಾಗಿ ಅತ್ಯಂತ ಸೂಕ್ಷ್ಮ ನಿಲುವುಗಳಾಗಿ ಯಾವತ್ತಿಗೂ ಚರ್ಚೆಗೆ ಒಳಪಡುತ್ತಿರುವ ‘ಅಲ್ಪಸಂಖ್ಯಾತರು’ ‘ಲಿಂಗ’ ಹಾಗೂ ‘ಜಾತಿ’ಗಳ ನಡುವೆ ಒಂದು ಬಗೆಯ ತಾರ್ಕಿಕ ನಂಟನ್ನು ಏರ್ಪಡಿಸಬಹುದು. ರಾಷ್ಟ್ರೀಯತೆಯ ಜೊತೆಗೆ ಅಲ್ಪಸಂಖ್ಯಾತರು, ಲಿಂಗ ಹಾಗೂ ಜಾತಿಯ ವಿನ್ಯಾಸಗಳನ್ನು ಇಟ್ಟು ನೋಡಿದರೆ, ರಾಷ್ಟ್ರೀಯತೆ ಎನ್ನುವುದು ಕೇವಲ ಏಕಾಕೃತಿಯ ನೆಲೆಯನ್ನಾಗಿ ಬಿಂಬಿಸಲಾಗುತ್ತದೆ. ಇಂತಹ ಏಕಾಕೃತಿ ನಿಲುವುಗಳನ್ನು ಭಗ್ನ ಮಾಡುವ ಅತ್ಯಂತ ಪ್ರಖರವಾದ ಚಿಂತನೆಗಳನ್ನು, ಅಲ್ಪಸಂಖ್ಯಾತ, ಲಿಂಗ, ಜಾತಿ ಮತ್ತು ಧರ್ಮಗಳ ವಿನ್ಯಾಸಗಳನ್ನು ನೆಲೆಯಾಗಿಸಿಕೊಂಡು ಅಂಬೇಡ್ಕರ್ ಅವರು ಚಿಂತಿಸಿರುತ್ತಾರೆ. ಹಾಗೂ ಈ ಚಿಂತನೆಗಳ ಮುಖೇನವೇ ಸಾಂಸ್ಕೃತಿಕ-ಚಾರಿತ್ರಿಕ ಬಹುಳತೆಯನ್ನು ಕಂಡರಿಸುವ ದಾರಿಗಳನ್ನೂ ಅವರ ಚಿಂತನೆಗಳಲ್ಲಿ ಕಾಣಬಹುದಾಗಿದೆ.

ಅಂದರೆ ಅಂಬೇಡ್ಕರ್ ಅವರ ಸೈದ್ಧಾಂತಿಕ ತಿಳಿವಿನ ಚೌಕಟ್ಟನ್ನು ಅರಿಯಬೇಕೆಂದರೆ, ಅವರು ಫ್ರೆಂಚ್ ಕ್ರಾಂತಿಯಿಂದ ಎರವಲು ಪಡೆದಿರುವ ಸಾಮಾಜಿಕ-ರಾಜಕೀಯ ‘ತ್ರಿಕೂಟ’ (ಟ್ರಿನಿಟಿ) ಪರಿಕಲ್ಪನೆಗಳನ್ನು ಇಲ್ಲಿ ನಾವು ಪರಿಗಣನೆಗೆ ತೆಗೆದುಕೊಳ್ಳುವ ಅಗತ್ಯವಿದೆ. ‘ಸ್ವಾತಂತ್ರ್ಯ, ಸಮಾನತೆ ಹಾಗೂ ಸಹೋದರತ್ವ’ ಎಂಬುದಾಗಿ ಈ ತ್ರಿಕೂಟ ಪರಿಕಲ್ಪನೆಗಳನ್ನು ಗುರುತಿಸಬಹುದು.

ಫ್ರೆಂಚ್ ಕ್ರಾಂತಿಯ ನಿಲುವುಗಳನ್ನು ಕುರುಡಾಗಿ ಅನುಕರಿಸುವುದಾಗಲೀ ಇಲ್ಲವೇ ಆ ಕ್ರಾಂತಿಯ ನಿಲುವುಗಳನ್ನು ಯಥಾವತ್ತಾಗಿ ಪಾಲಿಸುವುದಾಗಲೀ ಅಂಬೇಡ್ಕರ್ ಅವರ ಉದ್ದೇಶವಾಗಿರಲಿಲ್ಲ. ಆದರೆ ಈ ಕ್ರಾಂತಿಯಿಂದ ಪ್ರೇರಣೆಯನ್ನು ಮಾತ್ರ ಪಡೆದುಕೊಂಡಿರುತ್ತಾರೆ. ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳನ್ನು ಮರುಪರೀಕ್ಷಿಸುವುದು ಅಷ್ಟೆಯಲ್ಲದೆ ಅವುಗಳನ್ನು ಮರು ವಿನ್ಯಾಸಗೊಳಿಸಿರುವುದನ್ನೂ ಇಲ್ಲಿ ನೋಡಬಹುದು. ಅಂದರೆ, ಫ್ರೆಂಚ್ ಕ್ರಾಂತಿಯ ಸನ್ನಿವೇಶಕ್ಕಿಂತ ಮಿಗಿಲಾದ ಸಾಮಾಜಿಕ-ಸಾಂಸ್ಕೃತಿಕ ಆಯಾಮ ಮತ್ತು ಅರ್ಥಗಳನ್ನು ಅಂಬೇಡ್ಕರ್ ಅವರು ಈ ಪರಿಕಲ್ಪನೆಗಳಿಗೆ ಕೊಟ್ಟಿರುತ್ತಾರೆ.

ಜಾತಿಕೇಂದ್ರಿತವಾದ ಭಾರತ ದೇಶವು ವರ್ಗಕೇಂದ್ರಿತವಾದ ಫ್ರೆಂಚ್ ದೇಶಕ್ಕಿಂತ ಸಹಜವಾಗಿಯೇ ಭಿನ್ನವಾಗಿದೆ. ಈ ಸಾಮಾಜಿಕ ವಿನ್ಯಾಸಕ್ಕೆ ಅನುಗುಣವಾಗಿಯೇ ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳ ತಾತ್ವಿಕತೆಯನ್ನು ರೂಪಿಸಿರುತ್ತಾರೆ. ಸಮೂಹಗಳ ಒಳ್ಳೆಯ ಬದುಕಿಗೆ ಈ ತ್ರಿಕೂಟಗಳು ಅತ್ಯಂತ ಅವಶ್ಯವೆಂಬುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು (ರೊಡ್ರಿಗಸ್, 2002). ಚರಿತ್ರೆಯ ನಿರ್ಮಾಣದಲ್ಲಿ ಹಾಗೂ ಸಾಮಾಜಿಕ ಬದುಕುಗಳನ್ನು ಕಟ್ಟಿಕೊಳ್ಳುವಲ್ಲಿ ಈ ಸಮಾನತೆ, ಸ್ವಾತಂತ್ರ್ಯ ಹಾಗೂ ಸಹೋದರತ್ವವು ಎಷ್ಟೊಂದು ಮಹತ್ವದ ಪಾತ್ರವನ್ನು ವಹಿಸಬಲ್ಲವು ಎನ್ನುವುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು.

ಅಂಬೇಡ್ಕರ್ ಅವರು ಗಾಂಧಿ ಮತ್ತು ಕಾಂಗ್ರೇಸ್ ಸಂಘಟನೆಯನ್ನು ಕುರಿತು ‘ವ್ಹಾಟ್ ಗಾಂಧಿ ಆ್ಯಂಡ್ ಕಾಂಗ್ರೇಸ್ ಹ್ಯಾವ್ ಡನ್ ಟು ದ ಅನ್ಟಚೇಬಲ್ಸ್’ ಎಂಬ ಬರಹದಲ್ಲಿ ಸಮೂಹಗಳ ಏಳ್ಗೆಯ ನೆಲೆಯಿಂದ ವಿಶ್ಲೇಷಣೆ ಮಾಡಿರುತ್ತಾರೆ. ಅಂದರೆ ಸ್ವಾತಂತ್ರ್ಯ, ಸಮಾನತೆ ಮತ್ತು ಸಹೋದರತ್ವದಂತಹ ತ್ರಿಕೂಟ ಕಲ್ಪನೆಗಳು ಸಮೂಹಗಳ ಅಸ್ತಿತ್ವ, ಅಸ್ಮಿತೆ ಹಾಗೂ ಪ್ರಜ್ಞೆಯನ್ನು ಕುರಿತು ಮಾತ್ನಾಡಿದರೆ, ಕಾಂಗ್ರೆಸ್ ಸಂಘಟನೆಯು ರಾಷ್ಟ್ರೀಯತೆಯ ಕಲ್ಪನೆಯ ಬಗೆಗೆ ಮಾತ್ರ ಹೆಚ್ಚು ಕಾಳಜಿಯನ್ನು ವಹಿಸಿರುವುದನ್ನು ಇಲ್ಲಿ ನೋಡುತ್ತೇವೆ. ಆದರೆ ಗಾಂಧೀಜಿಯವರು ಸಾಂಪ್ರದಾಯಿಕ ರಾಷ್ಟ್ರೀಯತೆಯನ್ನು ಕುರಿತು ಯೋಚಿಸಿದರೆ, ನೆಹರೂ ಅವರು ಸಮಾಜವಾದದ ನೆಲೆಯಿಂದ ರಾಷ್ಟ್ರೀಯತೆಯ ಪ್ರಜ್ಞೆಯನ್ನು ರೂಪಿಸುವ ತುಡಿತವನ್ನು ಹೊಂದಿದ್ದರು. ಒಟ್ಟಾರೆ ರಾಷ್ಟ್ರೀಯತೆ ಬಗೆಗಿನ ನಿಲುವುಗಳಲ್ಲಿ ಬಹುಸಮಾಜಗಳು ಎದುರಿಸುವ ಸಾಮಾಜಿಕ-ರಾಜಕೀಯ ಬಿಕ್ಕಟ್ಟುಗಳು ಮಹತ್ವವನ್ನು ಪಡೆಯದೆ, ಕೇವಲ ರಾಷ್ಟ್ರ ಮತ್ತು ರಾಷ್ಟ್ರೀಯತೆಯ ಕುರಿತಾದ ಮೌಲ್ಯಗಳು ಮಾತ್ರ ಮುಂಚೂಣಿಗೆ ಬರುತ್ತವೆ.

ಹಾಗಾಗಿ ಭಾರತದ ಚರಿತ್ರೆಗಳಲ್ಲಿ ರಾಷ್ಟ್ರ, ರಾಷ್ಟ್ರ ಪ್ರಭುತ್ವ ಹಾಗೂ ರಾಷ್ಟ್ರೀಯತೆಗಳ ಮಹತ್ವ ಮತ್ತು ಹಿರಿಮೆಯ ಬಗೆಗಿರುವ ಕಾಳಜಿಗಳು, ಸಾಮಾಜಿಕ ಚರಿತ್ರೆಯನ್ನು ಬಿಂಬಿಸುವಲ್ಲಿ ಗೈರು ಆಗಿರುತ್ತವೆ. ಅಂಬೇಡ್ಕರ್ ಅವರು ಇಂತಹ ಚಾರಿತ್ರಿಕ ಲೋಪಗಳನ್ನು ಗುರುತಿಸುವ ಜೊತೆಗೆ, ರಾಜಕೀಯ ಪ್ರೇರಿತವಾದ ಚರಿತ್ರೆಗಳಿಗಿಂತ, ಸಾಮಾಜಿಕ ನೆಲೆಗಳಿಂದ ಚರಿತ್ರೆಯನ್ನು ಬರೆಯುವುದು ಎಷ್ಟೊಂದು ಮಹತ್ವದ ಕೆಲಸವೆಂಬುದನ್ನೂ ಮನಗಾಣಿಸಿದ್ದಾರೆ. ಸಾಮಾಜಿಕ ಚರಿತ್ರೆಗಳನ್ನು ಕಡೆಗಣಿಸಿ ರಾಷ್ಟ್ರೀಯತೆಯ ಕಲ್ಪನೆಯನ್ನು ಊಹಿಸುವುದು ಕೂಡ ದುಸ್ತರದ ಸಂಗತಿಯೆಂಬುದನ್ನು ಅಂಬೇಡ್ಕರ್ ಅವರು ಚಿಂತನೆಗಳು ನಮಗೆ ಮನವರಿಕೆ ಮಾಡುತ್ತವೆ. ಈ ಕಾರಣಗಳಿಂದ ‘ಚರಿತ್ರೆಯನ್ನು ಮರೆತವರು ಚರಿತ್ರೆಯನ್ನು ಸೃಷ್ಟಿಸಲಾರರು’ ಎಂಬ ನಿಲುವನ್ನು ಅತ್ಯಂತ ಬಲವಾಗಿಯೇ ಅಂಬೇಡ್ಕರ್ ಅವರು ನಂಬಿರುತ್ತಾರೆ ಎಂಬುದು ಅತ್ಯಂತ ಗಮನಾರ್ಹ ಸಂಗತಿ.

ಚರಿತ್ರೆ ಎಂಬುದು ಒಂದು ಕನಸಾಗಲೀ ಇಲ್ಲವೇ ಭ್ರಮೆಯಾಗಲೀ ಅಲ್ಲ ಹಾಗೂ ಚರಿತ್ರೆಯೆಂಬುದು ಒಂದು ನಿರ್ವಾತವೂ ಅಲ್ಲ ಮತ್ತು ತೆರಪುಗಳನ್ನು ತುಂಬುವ ಪ್ರಕ್ರಿಯೆಯೂ ಅಲ್ಲ. ಬದಲಾಗಿ ಅದೊಂದು ಸಾಮಾಜಿಕ-ಸಾಂಸ್ಕೃತಿಕ-ರಾಜಕೀಯ ಗ್ರಹಿಕೆ ಮತ್ತು ಜ್ಞಾನಶಿಸ್ತು ಆಗಿರುತ್ತದೆ. ಜ್ಞಾನಶಿಸ್ತುಗಳು ಮತ್ತು ಗ್ರಹಿಕೆಗಳು ಸಮೂಹ ಕೇಂದ್ರಿತವಾಗಿರುಬೇಕೆ ಹೊರತು ಕೇವಲ ರಾಜಕೀಯ-ಸಾಮಾಜಿಕ ಪ್ರಾಬಲ್ಯವನ್ನು ಹೊಂದಿರುವ ವ್ಯಕ್ತಿಗಳ ಇಲ್ಲವೇ ಆಳುವ ವರ್ಗಗಳನ್ನು ಮಾತ್ರ ಪ್ರತಿನಿಧಿಸುವ ವಿನ್ಯಾಸಗಳಾಗಿ ಇವುಗಳು ಇರಲಾರವು. ಚರಿತ್ರೆಯೂ ಒಂದು ಜ್ಞಾನಶಿಸ್ತೇ ಆಗಿರುವುದರಿಂದ, ಇದು ಬಹುಸಮೂಹಗಳನ್ನು ಪ್ರತಿನಿಧಿಸುವ ವಿನ್ಯಾಸವಾಗಬೇಕು ಎಂಬ ಅಚಲವಾದ ನಿಲುವನ್ನು ಅಂಬೇಡ್ಕರ್ ಅವರು ತಾಳಿದ್ದರು. ಯಾವುದೇ ಗ್ರಹಿಕೆಯು ಸಮೂಹ ಕೇಂದ್ರಿತವಾಗಿರುತ್ತದೆ ಎನ್ನುವ ನಿಲುವಿನಲ್ಲಿ ಅಂಬೇಡ್ಕರ್ ಅವರಿಗೆ ತಾತ್ವಿಕ ಹಾಗೂ ವೈಯಕ್ತಿಕವಾಗಿ ಅಪಾರವಾದ ನಂಬಿಕೆಯಿತ್ತು.

ಹಾಗಾಗಿ ಅಂಬೇಡ್ಕರ್ ಅವರು ನಿನ್ನೆಗಳನ್ನು ಕುರಿತಾದ ತಾತ್ವಿಕ ಪ್ರಶ್ನೆಗಳನ್ನು ಮೈಮೇಲೆ ಎಳೆದುಕೊಂಡು, ಅವುಗಳಿಗೆ ಉತ್ತರಗಳನ್ನು ಹುಡುಕುವ ಪ್ರಯತ್ನವನ್ನು ಮಾಡಿರುತ್ತಾರೆ. ನಿನ್ನೆಗಳು ತಮ್ಮ ಹಕ್ಕುಗಳೆಂದು ಯಾರು ವಾದಿಸುವವರೋ ಅವರೆಲ್ಲರಿಗೂ, ವರ್ತಮಾನದಲ್ಲಿ ಉಂಟಾಗಿರುವ ಬಿಕ್ಕಟ್ಟುಗಳಿಗೆ ಈ ನಿನ್ನೆಗಳು ಹೇಗೆ ಹೊಣೆಯಾಗಿವೆ ಎಂಬ ದಿಟವನ್ನು ಅರಿಯುವುದಕ್ಕೆ ಬೇಕಾದ ವಿಶ್ಲೇಷಣೆಗಳನ್ನು ಇವರು ಮಾಡಿರುತ್ತಾರೆ. ಅಂಬೇಡ್ಕರ್ ಅವರ ಈ ಹಾದಿಯು ಎಲ್ಲರಿಗೂ ಒಪ್ಪಿತವಾಗುವ ಸತ್ಯವನ್ನು ಹೇಳುವುದಲ್ಲ. ಬದಲಾಗಿ, ಎಲ್ಲ ಸಮೂಹಗಳ ಇವತ್ತಿನ ಬದುಕಿಗೆ ಅಗತ್ಯವಾಗಿರುವ ಹಾದಿಗಳನ್ನು ರೂಪಿಸುವುದಾಗಿತ್ತು. ಆದ್ದರಿಂದ, ಸದ್ಯದ ಚರಿತ್ರೆ, ಸಾಹಿತ್ಯ, ಸಂಸ್ಕೃತಿ, ಆರ್ಥಿಕತೆ ಹಾಗೂ ರಾಜಕಾರಣವನ್ನು ವಿಶ್ಲೇಷಿಸುವುದಕ್ಕೆ ಅಂಬೇಡ್ಕರ್ ಅವರು ರೂಪಿಸಿದ ಈ ತಾತ್ವಿಕ ವಿನ್ಯಾಸಗಳು ಅತ್ಯಂತ ಸಮರ್ಪಕವಾಗಿರುತ್ತವೆ. ಇವರ ಈ ತಾತ್ವಿಕ ವಿನ್ಯಾಸಗಳಲ್ಲಿ ಅನ್ಯ ಪ್ರಭಾವಕ್ಕಿಂತ ಪ್ರೇರಣೆಗಳನ್ನು ಮಾತ್ರ ನಾವು ಕಾಣುತ್ತೇವೆ. ಆದ್ದರಿಂದ ಅಂಬೇಡ್ಕರ್ ಅವರು ರೂಪಿಸಿದ ಮರುರಚನೆಯ (ರೀಕನ್ಸ್ಟ್ರಕ್ಸನ್) ಮಾದರಿಗಳು ಕೇವಲ ತೆರಪುಗಳನ್ನು ತುಂಬುವ ರಚನೆಗಳಾಗದೆ, ವರ್ತಮಾನದ ಬಿಕ್ಕಟ್ಟುಗಳಿಗೆ ಇವುಗಳು ಹೇಗೆ ಕಾರಣವಾಗಿರುತ್ತವೆ ಹಾಗೂ ಇವುಗಳಿಗೆ ಉತ್ತರಗಳನ್ನು ಕಂಡುಕೊಳ್ಳುವ ಬಗೆಗಳಾವುವು ಎಂಬೆಲ್ಲ ಸಂಗತಿಗಳನ್ನು ಕುರಿತು ಅತ್ಯಂತ ವಸ್ತುನಿಷ್ಠ ವಿಶ್ಲೇಷಣೆಗಳನ್ನು ತಮ್ಮ ಬರಹಗಳಲ್ಲಿ ಮಾಡಿರುತ್ತಾರೆ.

ಅಂಬೇಡ್ಕರ್ ಅವರಿಗಿಂತ ಮೊದಲು ಇಂತಹದೊಂದು ನೋಟಕ್ರಮಕ್ಕೆ ಚಾಲನೆಯನ್ನು ಕೊಟ್ಟವರು ಜ್ಯೋತಿರಾವ್ ಫುಲೆಯವರು. ಆದರೆ ಇವರಿಬ್ಬರ ತಿಳಿವಳಿಕೆಗಳನ್ನು ಹೋಲಿಸಿ ನೋಡುವ ಉದ್ದೇಶಕ್ಕಿಂತ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳು ಬೆಳೆಯುವುದಕ್ಕೆ ಬೇಕಾಗಿರುವ ಚಾರಿತ್ರಿಕ ಒತ್ತಡಗಳು ಹೇಗಿರುತ್ತವೆ ಎಂಬ ದಿಟವನ್ನು ಅರಿಯುವುದಕ್ಕೆ, ಫುಲೆಯವರ ಚಿಂತನೆಗಳನ್ನು ಇಲ್ಲಿ ಚರ್ಚಿಸಲಾಗಿದೆ. ಹಾಗೂ ಭಾರತದ ಸನ್ನಿವೇಶದಲ್ಲಿ ಚರಿತ್ರೆ ಕಥನಶಾಸ್ತ್ರಗಳ ವಿಭಿನ್ನ ಸ್ವರೂಪವನ್ನೂ ಈ ಮೂಲಕ ಅರಿಯಬಹುದಾಗಿದೆ. ಜ್ಞಾನಶಿಸ್ತುಗಳನ್ನು ರೂಪಿಸುವ ಪ್ರಕ್ರಿಯೆಯ ಭಾಗವಾಗಿ ಈ ಹಾದಿಯನ್ನು ಕರ್ನಾಟಕದ ವಿದ್ವತ್ ಲೋಕದಲ್ಲಿ ಇಡೀಯಾಗಿ ಅನುಸರಿಸುವುದನ್ನು ನಾನು ಕಾಣಲಾರೆ.

ಅಂದರೆ ಯಾರೂ ಈ ಹಾದಿಯನ್ನು ತುಳಿಯುತ್ತಿಲ್ಲವೆಂದು ಅರ್ಥವಲ್ಲ. ಬದಲಾಗಿ ಇದುವೇ ಮುಖ್ಯಧಾರೆ ಚಿಂತನೆಯ ಕ್ರಮವಾಗಿ ಭಾರತ ಇಲ್ಲವೇ ಕರ್ನಾಟಕದಲ್ಲಿ ಇನ್ನೂ ಬೆಳೆದಿಲ್ಲವೆಂದರ್ಥ. ಆದರೆ ಅಂಬೇಡ್ಕರ್ ಚಿಂತನೆಯ ಮಾದರಿಯೆಂಬುದನ್ನು ಕೇವಲ ಪರ್ಯಾಯ ಆಲೋಚನೆಯ ಕ್ರಮವನ್ನಾಗಿ ಮಾತ್ರ ನೋಡಲಾಗಿದೆ. ಈ ನಿಲುವು ಸರಿಯಲ್ಲ. ಏಕೆಂದರೆ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳೇ ನಮ್ಮ ಮುಖ್ಯಧಾರೆಯ ಆಲೋಚನೆಯ ಕ್ರಮಗಳಾಗಬೇಕಾದ ತುರ್ತು ಇದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

ಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ

Published

on

~ಗೋವರ್ಧನ ನವಿಲೇಹಾಳು 

ಮಧ್ಯ ಕರ್ನಾಟಕದ ಹೃದಯಭಾಗವಾದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಈಗ ಉಪಚುನಾವಣೆಯ ಕಾವು‌ ಏರುತ್ತಲೇ ಇದೆ. ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದಾಗಿ ಖಾಲಿಯಾದ ಈ ಕ್ಷೇತ್ರದಲ್ಲಿ ಏಪ್ರಿಲ್ 9, 2026ರಂದು ಮತದಾನ ನಡೆಯಲಿದೆ. ಫಲಿತಾಂಶ ಮೇ 4ರಂದು ಪ್ರಕಟವಾಗಲಿದೆ. ಈ ಉಪಚುನಾವಣೆಯು ಕೇವಲ ಒಂದು ಸೀಟಿನ ಹೋರಾಟವಲ್ಲ; ಇದು ಕರ್ನಾಟಕ ರಾಜಕೀಯದಲ್ಲಿ ಪ್ರತಿಷ್ಠೆ, ಕುಟುಂಬ ವಾರಸುದಾರಿಕೆ, ಸಮುದಾಯ ಸಮೀಕರಣಗಳು ಮತ್ತು ಅಭಿವೃದ್ಧಿ ನಿರೀಕ್ಷೆಗಳ ನಡುವಿನ ಸಂಕೀರ್ಣ ಸಮರವಾಗಿದೆ.

ಶಾಮನೂರು ಶಿವಶಂಕರಪ್ಪ ಅವರು ತಾನು ಸ್ಪರ್ಧಿಸಿದ ಈ ಕ್ಷೇತ್ರವನ್ನು ಎಂದೂ ಸೋಲದೆ ಉಳಿಸಿಕೊಂಡಿದ್ದರು. ಅವರ ನಂತರ ಕಾಂಗ್ರೆಸ್ ಪಕ್ಷವು ಅವರ ಮೊಮ್ಮಗ ಸಮರ್ಥ್ ಶಾಮನೂರು ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ಇದು ಕಾಂಗ್ರೆಸ್ ಹೇಳುವಂತೆ “ಕುಟುಂಬಕ್ಕೆ ಟಿಕೆಟ್ ನೀಡುವ ಸಾಂಪ್ರದಾಯಿಕ ನಡೆ”ಯಾಗಿದೆ. ಬಿಜೆಪಿ ಪಕ್ಷವು ಶ್ರೀನಿವಾಸ್ ಟಿ. ದಾಸಕರಿಯಪ್ಪ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದೆ. ಇದರ ಜೊತೆಗೆ SDPIಯ ಅಫ್ಸರ್ ಕೊಡ್ಲಿಪೇಟೆ, ಸಾದಿಕ್ ಪೈಲ್ವಾನ್ ಸೇರಿದಂತೆ 25 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಆದರೆ ಮುಖ್ಯ ಹೋರಾಟ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆಯೇ ಇದೆ .

ಈ ಉಪಚುನಾವಣೆಯಲ್ಲಿ ಮುಸ್ಲಿಂ ಸಮುದಾಯದ ಪಾತ್ರ ನಿರ್ಣಾಯಕವಾಗಿದೆ. ಕ್ಷೇತ್ರದಲ್ಲಿ ಮುಸ್ಲಿಂ ಮತದಾರರ ಸಂಖ್ಯೆ ಸುಮಾರು 40% ಇದೆ ಎಂದು ಅಂದಾಜು. ಶಾಮನೂರು ಕುಟುಂಬಕ್ಕೆ ಐತಿಹಾಸಿಕ ಬೆಂಬಲವಿದ್ದರೂ, ಈ ಬಾರಿ ಮುಸ್ಲಿಂ ನಾಯಕರು ಟಿಕೆಟ್ ಆಕಾಂಕ್ಷೆಯನ್ನು ವ್ಯಕ್ತಪಡಿಸಿದ್ದರು. ಕಾಂಗ್ರೆಸ್ ಪಕ್ಷವು ಕುಟುಂಬ ವಾರಸುದಾರಿಕೆಯನ್ನು ಆಯ್ಕೆ ಮಾಡಿದ್ದಕ್ಕೆ ಅಸಮಾಧಾನ ವ್ಯಕ್ತವಾಗಿದೆ. ಸಚಿವ ಜಮೀರ್ ಅಹಮದ್ ಅವರ ಪ್ರಚಾರ ಮತ್ತು ಸಿಎಂ ಸಿದ್ದರಾಮಯ್ಯ ಅವರ ಭೇಟಿಗಳು ಈ ಅಸಮಾಧಾನವನ್ನು ತಣಿಸುವ ಪ್ರಯತ್ನವಾಗಿದೆ. ಆದರೆ ಮುಸ್ಲಿಂ ಮತಗಳ ವಿಭಜನೆಯ ಸಾಧ್ಯತೆ ಇದೆ. SDPI ಮತ್ತು ಇತರ (ಕಾಂಗ್ರೆಸ್ ಸಾದಿಕ್ ಅವರನ್ನು ಪೈಲ್ವಾನ್ ತಟಸ್ಥರಾಗಿರುವಂತೆ ಹೇಳಿದೆ) ಮುಸ್ಲಿಂ ಅಭ್ಯರ್ಥಿಗಳು ಈ ವಿಭಜನೆಯನ್ನು ಹೆಚ್ಚಿಸುವ ಸಾಧ್ಯತೆಯಿದೆ. ಬಿಜೆಪಿ ಎಸ್‌ಟಿ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಅಹಿಂದ ಮತಗಳನ್ನು ಸೆಳೆಯುವ ತಂತ್ರ ರೂಪಿಸಿದೆ.

ಕಾಂಗ್ರೆಸ್ ಪಕ್ಷಕ್ಕೆ ಈ ಉಪಚುನಾವಣೆ ಪ್ರತಿಷ್ಠೆಯ ವಿಷಯವಾಗಿದೆ. ರಾಜ್ಯದಲ್ಲಿ ಆಡಳಿತಾರೂಢ ಪಕ್ಷವಾಗಿ ತನ್ನ ಬಲವನ್ನು ಉಳಿಸಿಕೊಳ್ಳುವುದು ಅತ್ಯಗತ್ಯ. ಸಿಎಂ ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ದಾವಣಗೆರೆ ದಕ್ಷಿಣಕ್ಕೆ 100 ಕೋಟಿ ರೂಪಾಯಿ ಅನುದಾನ ಘೋಷಿಸಿದ್ದು, ಇದು ಉಪಚುನಾವಣೆಗೆ ಮುನ್ನ ಜನರನ್ನು ಆಕರ್ಷಿಸುವ ಪ್ರಯತ್ನವಾಗಿ ಕಾಣುತ್ತಿದೆ. ಅನುಕಂಪದ ಅಲೆಯೂ ಕಾಂಗ್ರೆಸ್‌ಗೆ ಬೆಂಬಲ ನೀಡುವ ಸಾಧ್ಯತೆಯಿದೆ. ಆದರೆ ಪಕ್ಷದಲ್ಲಿ ಬಂಡಾಯದ ಬಿಸಿ ತಟ್ಟಿದೆ. ಕಾಂಗ್ರೆಸ್ ನ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಅವರನ್ನು ಪಕ್ಷ ಚುನಾವಣೆಯಲ್ಲಿ ತಟಸ್ಥರಾಗಿರುವಂತೆ ಹೇಳಿದೆ. ಆದರೆ ಇದು ಮುಸಲ್ಮಾನರ ಒಳಮುನಿಸನ್ನು ತಣಿಸುತ್ತದೆಯೇ ಅಥವಾ ಮತ ವಿಭಜನೆಗೆ ಕಾರಣವಾಗುತ್ತದೆಯೇ ಎಂಬುದು ಫಲಿತಾಂಶದ ಮೇಲೆ ಪರಿಣಾಮವನ್ನಂತೂ ಬೀರುತ್ತದೆ.

ಬಿಜೆಪಿ ಪಕ್ಷಕ್ಕೆ ಇದು ನೈತಿಕ ಸ್ಥೈರ್ಯವನ್ನು ಹೆಚ್ಚಿಸುವ ಅವಕಾಶ. 2023ರ ವಿಧಾನಸಭಾ ಚುನಾವಣೆಯಲ್ಲಿ ಶಾಮನೂರು ಶಿವಶಂಕರಪ್ಪ ಅವರು ಬಿಜೆಪಿ ಅಭ್ಯರ್ಥಿ ಅಜಯ್ ಕುಮಾರ್ ಅವರನ್ನು ಸುಮಾರು 27,888 ಮತಗಳ ಅಂತರದಿಂದ ಸೋಲಿಸಿದ್ದರು. ಈ ಬಾರಿ ಬಿಜೆಪಿ “ಬದಲಾವಣೆ”ಯ ಸಂದೇಶವನ್ನು ನೀಡುತ್ತಿದೆ. ಅಭಿವೃದ್ಧಿ ಕೊರತೆ, ಗ್ಯಾರಂಟಿ ಯೋಜನೆಗಳ ವೆಚ್ಚ ಮತ್ತು ಸರ್ಕಾರದ ನೀತಿಗಳ ವಿರುದ್ಧ ವಾಗ್ದಾಳಿ ನಡೆಸುತ್ತಿದೆ. ಶ್ರೀನಿವಾಸ್ ದಾಸಕರಿಯಪ್ಪ ಅವರು ಕುಟುಂಬ ರಾಜಕಾರಣಕ್ಕೆ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ. ಆದರೆ ಬಿಜೆಪಿಗೆ ಕ್ಷೇತ್ರದಲ್ಲಿ ಐತಿಹಾಸಿಕ ಬೆಂಬಲ ಕಡಿಮೆ. ಮುಸ್ಲಿಂ ಮತ್ತು ಅಹಿಂದ ಮತಗಳನ್ನು ತನ್ನತ್ತ ಸೆಳೆಯುವುದು ಅವರ ದೊಡ್ಡ ಸವಾಲು.

ದಾವಣಗೆರೆ ದಕ್ಷಿಣ ಕ್ಷೇತ್ರವು ಕೈಗಾರಿಕೆ, ವ್ಯಾಪಾರ ಮತ್ತು ಕೃಷಿಯ ಸಮ್ಮಿಶ್ರಣವಾಗಿದೆ. ರಸ್ತೆಗಳು, ನೀರಾವರಿ, ಉದ್ಯೋಗ, ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳು ಜನರ ಮುಖ್ಯ ನಿರೀಕ್ಷೆಗಳು. ಹಿರಿಯ ಶಾಸಕರ ಕಾಲದಲ್ಲಿ ಕ್ಷೇತ್ರಕ್ಕೆ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದ್ದವು. ಆದರೆ ಇಂದು ಯುವಕರ ಉದ್ಯೋಗ, ಮಹಿಳೆಯರ ಸುರಕ್ಷತೆ ಮತ್ತು ಸ್ಥಳೀಯ ಸಮಸ್ಯೆಗಳು ಬಗೆಹರಿಯಬೇಕಿದೆ. ಉಪಚುನಾವಣೆಯಲ್ಲಿ ಅಭ್ಯರ್ಥಿಗಳು ಭರವಸೆಗಳ ಮಳೆ ಸುರಿಸುತ್ತಿದ್ದಾರೆ. ಆದರೆ ಜನರು ನೋಡುವುದು ಕಾರ್ಯನಿರ್ವಹಣೆಯನ್ನು. 100 ಕೋಟಿ ಅನುದಾನ ಘೋಷಣೆಯಂತಹ ಕ್ರಮಗಳು ತಾತ್ಕಾಲಿಕ ಆಕರ್ಷಣೆಯಾಗಬಹುದು, ಆದರೆ ಸುಸ್ಥಿರ ಅಭಿವೃದ್ಧಿ ಅಗತ್ಯ.

ರಾಜಕೀಯವು ಜನಸೇವೆಗಾಗಿ ಇರಬೇಕು, ಅಧಿಕಾರಕ್ಕಾಗಿ ಅಲ್ಲ ಎಂಬುದು ಎಲ್ಲರೂ ಹೇಳುವ ಮಾತು. ಆದರೆ ವಾಸ್ತವದಲ್ಲಿ ಕುಟುಂಬ ರಾಜಕಾರಣ, ಜಾತಿ-ಸಮುದಾಯ ಲೆಕ್ಕಾಚಾರಗಳು ಪ್ರಬಲವಾಗಿವೆ. ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬದ ವರ್ಚಸ್ಸು ದೀರ್ಘಕಾಲದ್ದು. ಇದು ಜನಸೇವೆಯ ಫಲವೋ ಅಥವಾ ವ್ಯವಸ್ಥೆಯ ದೌರ್ಬಲ್ಯವೋ ಎಂಬುದನ್ನು ಜನರು ನಿರ್ಧರಿಸಬೇಕು. ಬಿಜೆಪಿ “ಬದಲಾವಣೆ”ಯ ಸಂದೇಶ ನೀಡುತ್ತಿದ್ದರೂ, ಅದು ಕೇವಲ ವಿರೋಧ ಪಕ್ಷದ ಧ್ವನಿಯಾಗಿ ಉಳಿಯದೆ ಸಕಾರಾತ್ಮಕ ಪರ್ಯಾಯವಾಗಬೇಕು.

ಈ ಉಪಚುನಾವಣೆಯಲ್ಲಿ ಮತದಾರರ ಜವಾಬ್ದಾರಿ ದೊಡ್ಡದು. ಅನುಕಂಪ, ಕುಟುಂಬ ನಿಷ್ಠೆ ಅಥವಾ ಸಮುದಾಯ ಲೆಕ್ಕಾಚಾರಕ್ಕಿಂತ ಹೆಚ್ಚಾಗಿ ಅಭಿವೃದ್ಧಿ, ಪಾರದರ್ಶಕತೆ ಮತ್ತು ಜನೋಪಯೋಗಿ ಕಾರ್ಯಗಳನ್ನು ಆಧರಿಸಿ ಮತ ನೀಡಬೇಕು. ಯುವಕರು ಮತ್ತು ಮಹಿಳೆಯರು ಹೆಚ್ಚು ಸಕ್ರಿಯರಾಗಬೇಕು. ಮತದಾನ ಶೇಕಡಾ 80ಕ್ಕಿಂತ ಹೆಚ್ಚು ಆಗುವಂತೆ ಮಾಡುವುದು ಪ್ರಜಾಪ್ರಭುತ್ವದ ಆರೋಗ್ಯಕ್ಕೆ ಸೂಚಕ.

ಕರ್ನಾಟಕ ರಾಜಕೀಯದಲ್ಲಿ ಉಪಚುನಾವಣೆಗಳು ಸಣ್ಣ ಪರೀಕ್ಷೆಗಳು. ದಾವಣಗೆರೆ ದಕ್ಷಿಣದ ಫಲಿತಾಂಶವು 2028ರ ವಿಧಾನಸಭಾ ಚುನಾವಣೆಗೆ ಸಂದೇಶ ನೀಡುತ್ತದೆ. ಕಾಂಗ್ರೆಸ್ ಗೆದ್ದರೆ ಅದು ತನ್ನ ಬಲವನ್ನು ಮತ್ತಷ್ಟು ಭದ್ರಪಡಿಸಿಕೊಳ್ಳುತ್ತದೆ. ಬಿಜೆಪಿ ಗೆದ್ದರೆ ಅದು ವಿರೋಧ ಪಕ್ಷವಾಗಿ ತನ್ನ ಸಾಮರ್ಥ್ಯವನ್ನು ತೋರಿಸುತ್ತದೆ. ಆದರೆ ಗೆಲುವು ಯಾರದ್ದಾದರೂ, ಜಯಿಸುವುದು ದಾವಣಗೆರೆ ದಕ್ಷಿಣದ ಜನರೇ ಆಗಬೇಕು.

ಈ ಹೋರಾಟದಲ್ಲಿ ರಾಜಕೀಯ ಪಕ್ಷಗಳು ಜನರ ಸಮಸ್ಯೆಗಳನ್ನು ಕೇಂದ್ರದಲ್ಲಿ ಇರಿಸಿಕೊಂಡು ಪ್ರಚಾರ ಮಾಡಲಿ. ಮತದಾರರು ತಮ್ಮ ಧ್ವನಿಯನ್ನು ಸ್ಪಷ್ಟವಾಗಿ ಮತ್ತು ನಿರ್ಭಯವಾಗಿ ವ್ಯಕ್ತಪಡಿಸಲಿ. ದಾವಣಗೆರೆ ದಕ್ಷಿಣ ಉಪಚುನಾವಣೆಯು ಪ್ರಜಾಪ್ರಭುತ್ವದ ಸೌಂದರ್ಯವನ್ನು ಪ್ರದರ್ಶಿಸುವ ಅವಕಾಶವಾಗಲಿ. ಅಭಿವೃದ್ಧಿ, ಸಮಾನತೆ ಮತ್ತು ಪಾರದರ್ಶಕ ಆಡಳಿತದತ್ತ ಕ್ಷೇತ್ರ ಸಾಗಲಿ ಎಂಬುದೇ ನಮ್ಮ ಆಶಯ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ದಿನದ ಸುದ್ದಿ

ತತ್ವಪದಗಳು ಸಾರ್ವಕಾಲಿಕ ಬೆಳಕನಿಧಿ: ಕಾ.ತ.ಚಿಕ್ಕಣ್ಣ

Published

on

ಸುದ್ದಿದಿನ,ಬೆಂಗಳೂರು:ತತ್ವಪದಗಳು ಎಲ್ಲ ಕಾಲಕ್ಕೂ ಸಲ್ಲುವಂತಹ ಬೆಳಕನ್ನು ನೀಡುವ ಸೃಜನಶೀಲ ಸಂರಚನೆಗಳಾಗಿವೆ ಎಂದು ಕರ್ನಾಟಕ ಸರ್ಕಾರದ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಅಧ್ಯಕ್ಷರಾದ ಶ್ರೀ ಕಾ.ತ.ಚಿಕ್ಕಣ್ಣ ಅವರು ಅಭಿಪ್ರಾಯಪಟ್ಟರು.

ಬೆಂಗಳೂರಿನ ಕೆ.ನಾರಾಯಣಪುರದ ಕ್ರಿಸ್ತು ಜಯಂತಿ ಡೀಮ್ಡ್ ವಿಶ್ವವಿದ್ಯಾನಿಲಯದ ಕನ್ನಡ ವಿಭಾಗ ಹಾಗೂ ಕರ್ನಾಟಕ ಸರ್ಕಾರದ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಕನ್ನಡ ತತ್ವಪದ ಸಾಹಿತ್ಯ: ಸಾಂಸ್ಕೃತಿಕ ಅನುಸಂಧಾನ’ ವಿಷಯ ಕುರಿತಾದ ಒಂದು ದಿನದ ರಾಷ್ಟ್ರೀಯ ವಿಚಾರಸಂಕಿರಣದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ ತತ್ವಪದ ಸಾಹಿತ್ಯ ರೂಪುಗೊಂಡಿದ್ದ ಕಾಲವನ್ನು ಕತ್ತಲಯುಗ ಎಂದು ಕರೆದು ವಿಸ್ಮೃತಿಗೆ ತಳ್ಳಲಾಗಿತ್ತು. ಆದರೆ ಆ ಕತ್ತಲೆಯುಗದಲ್ಲಿಯೇ ಜಗತ್ತಿಗೆ ಮಹೋನ್ನತ ಬೆಳಕು ನೀಡುವ ನುಡಿರತ್ನಗಳು ರಚನೆಗೊಂಡಿದ್ದವು. ತತ್ವಪದಕಾರರು ಪರಂಪರೆಯೊಂದಿಗೆ ಸಂವಾದ ನಡೆಸುತ್ತಾ ವರ್ತಮಾನಕ್ಕೆ ಸೂಕ್ತವಾಗಿ ಅನ್ವಯವಾಗುವ ಹಾಗೂ ಭವಿಷ್ಯಕ್ಕೆ ಬೇಕಾದ ಜಾಗೃತಿಯನ್ನು ನೀಡುವ ಮೂಲಕ ಕನ್ನಡ ಸಂಸ್ಕೃತಿಯಲ್ಲಿ ತಮ್ಮದೇ ಆದ ಮೌಲ್ಯಯುತ ಸ್ಥಾನವನ್ನು ಪಡೆದುಕೊಂಡಿವೆ. ಸಮಾಜದಲ್ಲಿರುವ ಜಾತಿಭೇದ, ಲಿಂಗಭೇದ, ವರ್ಣಭೇದ ಮೊದಲಾದ ವಿಷಕಾರಿ ಮನಸ್ಥಿತಿಗೆ ತತ್ವಪದಕಾರರು ತಮ್ಮ ನುಡಿ-ನಡೆಗಳ ಮೂಲಕ ಚಿಕಿತ್ಸೆ ನೀಡುವ ಮೂಲಕ ಬದುಕಿನ ಸತ್ಯ ಮತ್ತು ಸಾರ್ಥಕತೆಯನ್ನು ಸಾಧಿಸಿತೋರಿದ್ದಾರೆ ಎಂದು ತಿಳಿಸಿದರು.

ವಿಶ್ವಾತ್ಮಕವಾದ ಸಂವೇದನೆಯ ತತ್ವಪದ ಸಾಹಿತ್ಯ

ವಿಚಾರಸಂಕಿರಣವನ್ನು ಉದ್ಘಾಟನೆ ಮಾಡಿದ ಕ್ರಿಸ್ತು ಜಯಂತಿ ವಿವಿಯ ಸಂಸೋಧನೆ ಮತ್ತು ಅಭಿವೃದ್ಧಿ ವಿಭಾಗದ ನಿರ್ದೇಶಕರಾದ ಫಾ.ಡಾ.ಮರಿಯಾಲಾಲ್ ಜೋಸೆಫ್ ಅವರು, ಕನ್ನಡದ ತತ್ವಪದಗಳು ಜನಸಾಮಾನ್ಯರ ವೇದಗಳಾಗಿವೆ. ಕನ್ನಡ ಸಾಹಿತ್ಯಕ್ಕೆ ಸಂಗೀತಾತ್ಮಕ ಶಾಸ್ತ್ರೀಯ ಸಂರಚನೆಯ ಜೊತೆಗೆ ವಿಶ್ವಾತ್ಮಕವಾದ ಸಂವೇದನೆಯ ಮೂಲಕ ಮಹತ್ತರವಾದ ಕೊಡುಗೆ ನೀಡಿದ್ದು ತತ್ವಪದ ಸಾಹಿತ್ಯ.

ಮಧ್ಯಯುಗೀನ ಕಾಲದ ಭಕ್ತಿಚಳವಳಿಯ ಭಾಗವಾಗಿ ಮೂಡಿಬಂದ ವಚನ ಸಾಹಿತ್ಯ ಹಾಗೂ ಕೀರ್ತನ ಸಾಹಿತ್ಯಗಳು ಕರ್ನಾಟಕದಲ್ಲಿ ಮೂಡಿಸಿದ ಸಾಂಸ್ಕೃತಿಕ ಚೈತನ್ಯಶೀಲತೆಯನ್ನು ನಂತರದಲ್ಲಿ ಮುಂದುವರೆಸುವ ಮೂಲಕ ಮತ್ತಷ್ಟು ಎತ್ತರಕ್ಕೆ ಕೊಂಡೊಯ್ದದ್ದು ತತ್ವಪದ ಸಾಹಿತ್ಯವಾಗಿದೆ. ಇಂದಿನ ಆವೇಗದ ಆಧುನಿಕ ಜಗತ್ತಿಗೆ ತತ್ವಪದಕಾರರು ನೀಡಿದ ಅರಿವಿನ ಬೆಳಕು ಅತ್ಯಗತ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.

ನಿಜತ್ವ ಬೆಳಗುವ ದಾರಿದೀಪ ತತ್ವಪದಗಳು-ಪದ್ಮಾಲಯ ನಾಗರಾಜ್: ಪ್ರಧಾನಗೋಷ್ಠಿಯ ಅಧ್ಯಕ್ಷತೆ ವಹಿಸಿ ತತ್ವಪದಗಳ ಸಾಂಸ್ಕೃತಿಕ ಮಹತ್ವ ಕುರಿತು ಮಾತನಾಡಿದ ಅಚಲ ಸಾಧಕರಾದ ಪದ್ಮಾಲಯ ನಾಗರಾಜ್ ಅವರು, ಜಗತ್ತಿನಾದ್ಯಂತ ಇಂದು ನಡೆಯುತ್ತಿರುವ ಅಧಿಕಾರ ಹಾಗೂ ವ್ಯಾಪಾರದಾಹೀ ರಾಜಕೀಯ ಲಂಪಟ, ಆರ್ಥಿಕ ಲಂಪಟ ಹಾಗೂ ಸಾಮಾಜಿಕ ಅಸಮಾನ ಸೃಷ್ಟಿಗಳು ಮಾನವಲೋಕವನ್ನು ಭ್ರಮೆ ಮತ್ತು ಅಸತ್ಯದತ್ತ ಕೊಂಡೊಯ್ಯುತ್ತಿವೆ. ಅವೈಜ್ಞಾನಿಕ ಕಲ್ಪನೆಗಳನ್ನು ಹುಟ್ಟುಹಾಕುತ್ತಾ ವಾಸ್ತವಿಕತೆಯಿಂದ ದೂರಮಾಡುತ್ತಿವೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ನಿರಂತರ ಆಗುವಿಕೆಯ ಅನಂತವಿಶ್ವದಲ್ಲಿ ನಾವೊಂದು ಬಿಂದುವೆಂಬ ಸತ್ಯದರ್ಶನ ಮಾಡಿಸುವ ಮೂಲಕ ನಿಜತ್ವವನ್ನು ಬೆಳಗುವ ದಾರದೀಪವಾಗಿವೆ ತತ್ವಪದಗಳು ಎಂದು ತಿಳಿಸಿದರು.

‘ತತ್ವಪದಕಾರ್ತಿಯರ ಲೋಕದೃಷ್ಠಿ’ಯನ್ನು ಕುರಿತು ವಿಚಾರಮಂಡನೆ ಮಾಡಿದ ಡಾ.ಶೋಭಾರಾಣಿ ಎನ್. ಅವರು, ‘ತತ್ವಪದಕಾರ್ತಿಯರು ಸಂಸಾರದ ಸಹಯಾನದೊಂದಿಗೇ ಅಧ್ಯಾತ್ಮಿಕ ಸಾಧನೆಯನ್ನು ಮಾಡಬಹುದೆಂದು ಸಾಧಿಸಿತೋರಿದ್ದಾರೆ. ನಿರ್ಭೀತ ನುಡಿಕಾರರು ತತ್ವಪದಕಾರ್ತಿಯರು. ಮಹಿಳಾ ತತ್ವಪದಕಾರರ ಇನ್ನೂ ಎಷ್ಟೋ ತತ್ವಪದಗಳು ಸಂಗ್ರಹವಾಗಬೇಕಿದೆ’ ಎಂದು ಅಭಿಪ್ರಯಪಟ್ಟರು.

‘ಕನ್ನಡ ತತ್ವಪದಗಳು ಮತ್ತು ಬಹುತ್ವ ಭಾರತ’ ಕುರಿತು ಮಾತನಾಡಿದ ರವಿ ಕಂಬಳಿ ಅವರು, ಬಹುಸಂಸ್ಕೃತಿಗಳಿರುವ ಭಾರತದಲ್ಲಿ ಏಕರೂಪೀತನದ ಯಾಜಮಾನ್ಯ ಹೇರುವ ದೌರ್ಜನ್ಯ ಹಾಗೂ ಸಮಸ್ಯೆಗಳಿಗೆ ಪ್ರತಿಕ್ರಿಯೆಯಾಗಿ ಕನ್ನಡ ತತ್ವಪದಕಾರರು ಬಹುತ್ವವನ್ನು ತಮ್ಮ ಸಾಹಿತ್ಯದ ಆಶಯ ಹಾಗೂ ಬದುಕಿನ ಆಚರಣೆಯನ್ನಾಗಿ ಮಾಡಿಕೊಂಡರು. ಮೌಢ್ಯರಹಿತವಾದ ಸಮಸಮಾಜ ಕಲ್ಪನೆ ಅವರದಾಗಿತ್ತು. ತಮಗಿಂತಲೂ ಹಿಂದೆ ಹಲವು ಬಗೆಯ ಬಹುತ್ವದ ಮಾದರಿಗಳನ್ನು ಪ್ರತಿಪಾದಿಸಿದ್ದ ವಚನಕಾರರು ಇವರಿಗೆ ಆದರ್ಶವಾಗಿದ್ದರು ಎಂದು ತಿಳಿಸಿದರು.

ವಿಚಾರಸಂಕಿರಣದ ಭಾಗವಾಗಿ ಹೊರತರಲಾಗಿದ್ದ ‘ಕನ್ನಡ ತತ್ವಪದ ಸಾಹಿತ್ಯ

ಸಾಂಸ್ಕೃತಿಕ ಅನುಸಂಧಾನ-ಸಂಪುಟ 1 ಮತ್ತು 2’ ಕೃತಿಗಳನ್ನು ಲೋಕಾರ್ಪಣೆಗೊಳಿಸಲಾಯಿತು. ಪ್ರಸಿದ್ಧ ಗಾಯಕರಾದ ಶ್ರೀ ಖಾಸೀಂ ಮಲ್ಲಿಗೆ ಮಡುವು ತತ್ವಪದ ಗಾಯನವನ್ನು ಪ್ರಸ್ತುತಪಡಿಸಿದರು. ಪರ್ಯಾಯಗೋಷ್ಠಿಗಳಲ್ಲಿ 6೦ಕ್ಕೂ ಹೆಚ್ಚು ಸಂಶೋಧಕರು ಪ್ರಬಂಧ ಮಂಡನೆ ಮಾಡಿದರು.

ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದ ಮಾನವಿಕ ವಿಭಾಗದ ಡೀನರಾದ ಡಾ.ಗೋಪಕುಮಾರ್ ಎ.ವಿ. ಅವರು ಮುಖ್ಯ ಅತಿಥಿಯಾಗಿದ್ದರು. ಕನ್ನಡ ವಿಭಾಗದ ಮುಖ್ಯಸ್ಥರಾದ ಕ್ಯಾಪ್ಟನ್ ಡಾ.ಸರ್ವೇಶ್ ಬಿ.ಎಸ್. ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ವಿಚಾರಸಂಕಿರಣದ ಸಂಯೋಜಕರಾದ ಡಾ.ಕಿರಣಕುಮಾರ್ ಹೆಚ್.ಜಿ ಅವರು ವಂದಿಸಿದರು.

ಕನ್ನಡ ಪ್ರಾಧ್ಯಾಪಕರಾದ ಡಾ.ಕುಪ್ಪನಹಳ್ಳಿ ಎಂ.ಭೈರಪ್ಪ ಅವರು ನಿರೂಪಿಸಿದರು. ಕನ್ನಡ ಪ್ರಾಧ್ಯಾಪಕರಾದ ಪ್ರೊ.ಚಂದ್ರಶೇಖರ್ ಎನ್., ಡಾ.ಸೈಯದ್ ಮುಯಿನ್, ಡಾ.ರವಿಶಂಕರ್ ಎ.ಕೆ., ತತ್ವಪದಕಾರರ ಅಧ್ಯಯನ ಕೇಂದ್ರದ ಸಿಬ್ಬಂದಿವರ್ಗದವರಾದ ರಜತಾ ಶೆಟ್ಟಿ ಹಾಗೂ ಸುಪ್ರಿಯಾ ಅವರು ಉಪಸ್ಥಿತರಿದ್ದರು. 200ಕ್ಕೂ ಹೆಚ್ಚು ಅಧ್ಯಾಪಕರು, ಸಂಶೋಧಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ8 hours ago

ತ್ಯಾವಣಿಗೆಯ ಪ್ರಸಿದ್ಧ ಐವಿನ್ ಕಂಪ್ಯೂಟರ್ ತರಬೇತಿ ಕೇಂದ್ರ ; ಸೃಜನಶೀಲ ಚಟುವಟಿಕೆಯೊಂದಿಗೆ ಕಂಪ್ಯೂಟರ್ ಕಲಿಸ್ತಾರೆ ಈ ಚೇತನ್

ಸುದ್ದಿದಿನ ವಿಶೇಷ – ವಿದ್ಯಾನಾಯ್ಕ್ ಅರೇಹಳ್ಳಿ ಸುದ್ದಿದಿನ,ದಾವಣಗೆರೆ : ಕಂಪ್ಯೂಟರ್ ತರಬೇತುದಾರರೊಬ್ಬರು ತನ್ನ ಕಂಪ್ಯೂಟರ್ ತರಬೇತಿ ಕೇಂದ್ರಕ್ಕೆ ಬರುವ ಶಿಭಿರಾರ್ಥಿ ಗಳಿಗೆ ಕೇವಲ ಕಂಪ್ಯೂಟರ್ ತರಬೇತಿ ಮಾತ್ರವಲ್ಲದೆ...

ದಿನದ ಸುದ್ದಿ18 hours ago

ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ಕುಡಿಯುವ ನೀರು ಬಿಡುಗಡೆ: ನದಿ ದಂಡೆಯ ಸಾರ್ವಜನಿಕರು, ರೈತರಿಗೆ ಎಚ್ಚರಿಕೆ

ಸುದ್ದಿದಿನ,ದಾವಣಗೆರೆ: ಹಾವೇರಿ, ರಾಣೇಬೆನ್ನೂರ, ಬ್ಯಾಡಗಿ ಮತ್ತು ಹಿರೇಕೆರೂರು ಪಟ್ಟಣಗಳಿಗೆ ಹಾಗೂ ನದಿ ಪಾತ್ರದ ಗ್ರಾಮಗಳಿಗೆ ಬಹುಗ್ರಾಮ ಯೋಜನೆಯಡಿ ಕುಡಿಯುವ ನೀರನ್ನು ಪೂರೈಸಲು ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ...

ದಿನದ ಸುದ್ದಿ19 hours ago

ಶಿಕ್ಷಕರು, ವಾರ್ಡನ್‌ಗಳಿಗೆ ಪೋಕ್ಸೊ ಕಾಯ್ದೆ ತರಬೇತಿ ನೀಡಿ

ಸುದ್ದಿದಿನ,ದಾವಣಗೆರೆ:ಜಿಲ್ಲೆಯ ಎಲ್ಲಾ ಶಾಲೆಗಳಲ್ಲಿ ಕಡ್ಡಾಯವಾಗಿ ‘ಚೈಲ್ಡ್ ಹೆಲ್ಪ್‌ಲೈನ್’ ಸಂಖ್ಯೆಯನ್ನು ಪ್ರದರ್ಶಿಸಬೇಕು ಹಾಗೂ ಶಿಕ್ಷಕರು ಮತ್ತು ವಾರ್ಡನ್‌ಗಳಿಗೆ ಪೋಕ್ಸೊ ಕಾಯ್ದೆ, ಮಕ್ಕಳ ಹಕ್ಕುಗಳು ಹಾಗೂ ಆನ್‌ಲೈನ್ ವಂಚನೆಗಳ ಕುರಿತು...

ದಿನದ ಸುದ್ದಿ2 days ago

ಲಾರಿ, ಟ್ರಾಕ್ಟರ್ ಗಳಿಗೆ ಟ್ರಿಪ್ ಚೀಟಿ ಇಲ್ಲದೆ ಅಕ್ರಮ ಸಾಗಾಣಿಕೆ ; ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳೊಂದಿಗೆ ಶಾಮೀಲು..!?

ಡಾ. ಗಿರೀಶ್ ಕುಮಾರ್ ಗೌಡ ಬಳ್ಳಾರಿ ಸುದ್ದಿದಿನ,ಬಳ್ಳಾರಿ:ಜಿಲ್ಲೆಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ನಾಪತ್ತೆ. ಲಾರಿಗಳ ಮಾಲೀಕರೊಂದಿಗೆ ಶ್ಯಾಮಿಲು. ಲಾರಿ, ಟ್ರಾಕ್ಟರ್ ಗಳಿಗೆ ಟ್ರಿಪ್...

ಅಂಕಣ2 days ago

ನೀಟ್ ಸೃಷ್ಟಿಸಿದ ಅವಾಂತರಗಳು ಮತ್ತು ಅದರ ಬಹುಮುಖಿ ಬಿಕ್ಕಟ್ಟುಗಳು: ಒಂದು ವಿಮರ್ಶಾತ್ಮಕ ನೋಟ

~ಡಾ.ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET) ಭಾರತದ ವೈದ್ಯಕೀಯ ಶಿಕ್ಷಣ ರಂಗದಲ್ಲಿ ಏಕರೂಪತೆ ಮತ್ತು ಪಾರದರ್ಶಕತೆಯನ್ನು ತರುವ...

ದಿನದ ಸುದ್ದಿ2 days ago

ಕೆ. ಶಿವರಾಜಕುಮಾರ್ ಅವರಿಗೆ ಪಿಎಚ್ ಡಿ ಪದವಿ

ಸುದ್ದಿದಿನ,ದಾವಣಗೆರೆ:ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಎಸ್‌ಜೆಎಂ ಪ್ರಥಮ ದರ್ಜೆ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಕೆ.ಶಿವರಾಜಕುಮಾರ್ ಮಂಡಿಸಿದ ‘ಪ್ರಧಾನ ಮಂತ್ರಿ ಜನಧನ ಯೋಜನಾ ಆಯ್ಯಂಡ್ ಫೈನಾನ್ಸಿಯಲ್...

ದಿನದ ಸುದ್ದಿ4 days ago

‘ಹಿಟ್ಲರ್ ಕಲ್ಯಾಣ’ದ ನಾಯಕನ ಬದುಕಿನ ಪಯಣ ಹೀಗಿತ್ತು

ಸುದ್ದಿದಿನ ಡೆಸ್ಕ್:ಆರಂಭಿಕ ಜೀವನ – 1978ರಲ್ಲಿ ಬೆಂಗಳೂರಿನಲ್ಲಿ ಜನಿಸಿದ ದಿಲೀಪ್ ರಾಜ್ ಅವರು ಕಾಲೇಜು ದಿನಗಳಿಂದಲೇ ಕಲೆಯತ್ತ ಒಲವು ಹೊಂದಿದ್ದರು. ಚಲನಚಿತ್ರ ರಂಗ – 2005ರಲ್ಲಿ ‘ಬಾಯ್...

ದಿನದ ಸುದ್ದಿ4 days ago

ಬ್ಯಾಕ್‌ಲಾಗ್ ನಿಯಮಾವಳಿ ಉಲ್ಲಂಘನೆ ; ಶಾಲಾ ಶಿಕ್ಷಣ ಇಲಾಖೆ ನಿರ್ದೇಶಕ ಕರಿಚಣ್ಣನವರ್ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಹರಿಹರ ನಗರದ ಮಾತೃಶ್ರೀ ರುದ್ರಮಾಂಬಾ ಬಸವಾರ್ಯ ಪ್ರೌಢಶಾಲೆಯ ಕನ್ನಡ ಶಿಕ್ಷಕರ ಬ್ಯಾಕ್‌ಲಾಗ್ (ಪರಿಶಿಷ್ಟ ಜಾತಿ) ನೇಮಕಾತಿಯಲ್ಲಿನ ಅಕ್ರಮಗಳನ್ನು ತನಿಖೆಗೆ ಒಳಪಡಿಸಿ ಆಡಳಿತ ಮಂಡಳಿ...

ದಿನದ ಸುದ್ದಿ4 days ago

ನಕಲಿ ಬಿಲ್ಲುಗಳ ಮೂಲಕ ಲಕ್ಷಾಂತರ ರೂಪಾಯಿ ಅವ್ಯವಹಾರ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ನಾಗರಾಜ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ: ನಕಲಿ ಬಿಲ್ಲುಗಳ ಮೂಲಕ ಲಕ್ಷಾಂತರ ರೂಪಾಯಿಗಳ ಅವ್ಯವಹಾರ ನಡೆಸಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕೊಡಚಗೊಂಡನಹಳ್ಳಿ, ನ್ಯಾಮತಿ ತಾಲ್ಲೂಕು ಇಲ್ಲಿನ ಪ್ರಾಂಶುಪಾಲರಾದ ನಾಗರಾಜ ಜಿ.ಎಂ...

ದಿನದ ಸುದ್ದಿ5 days ago

ನಾಳೆ ಹರಿಹರ ರೈಲು ನಿಲ್ದಾಣದಲ್ಲಿ ವಾರ್ಷಿಕ ವಿಪತ್ತು ನಿರ್ವಹಣೆ ಅಣುಕು ಅಭ್ಯಾಸ

ಸುದ್ದಿದಿನ, ಹರಿಹರ :ಇದೇ 14 ರಂದು ಗುರುವಾರ (ನಾಳೆ) ಹರಿಹರ ರೈಲು ನಿಲ್ದಾಣದಲ್ಲಿ ವಾರ್ಷಿಕ ವಿಪತ್ತು ನಿರ್ವಹಣೆಯ ಅಣುಕು ಅಭ್ಯಾಸವನ್ನು ಬೆಳಗ್ಗೆ 8:30 ಕ್ಕೆ ನಡೆಸಲಿದೆ ಎಂದು...

Trending