/home/u584543641/domains/suddidina.com/public_html/wp-content/themes/zox-news/amp-single.php on line 77

Warning: Trying to access array offset on value of type bool in /home/u584543641/domains/suddidina.com/public_html/wp-content/themes/zox-news/amp-single.php on line 77
" width="36" height="36">

ನೆಲದನಿ

ಕಂದಗಲ್ಲು ಓಬಕ್ಕನ ಸೋಬಾನೆ ಪದಗಳಲ್ಲಿ ಬಸವದರ್ಶನ

Published

on

ಭಾರತದ ಚರಿತ್ರೆಯನ್ನು ತಿಳಿಯುವುದಕ್ಕೆ ಶಿಷ್ಟ ಸಾಹಿತ್ಯದಷ್ಟೆ ಮೌಖಿಕ ಸಾಹಿತ್ಯವೂ ಮಹತ್ವದ ದಾಖಲೆಯನ್ನು ಒದಗಿಸುತ್ತದೆ. ಈ ಮೌಖಿಕ ಚರಿತ್ರೆಯು ನೆಲಮೂಲ ಬದುಕಿನ ಪ್ರತಿದನಿಯಾಗಿದೆ. ಇಂತಹ ಮೌಖಿಕ ಚರಿತ್ರೆಯು ನೆಲದನಿಯಾಗಿ ತನ್ನ ಸಂವೇದನೆಗಳನ್ನು ಅನಾವರಣಗೊಳಿಸುತ್ತ ಬಂದಿದೆ. ಆದರೆ ನಾವು ನಮ್ಮ ಚರಿತ್ರೆಯನ್ನು ಅಧ್ಯಯನ ಮಾಡುವ ಸಂದರ್ಭದಲ್ಲಿ ನಮ್ಮ ಮನೆಯಲ್ಲಿಯೇ ಇರುವ ಚರಿತ್ರೆಯನ್ನು ಅರಿಯದೆ ಯಾರೋ ತಮ್ಮಿಚ್ಚೆಯಂತೆ ಬರೆದು ಸಿದ್ಧಪಡಿಸಿದ ದಾಖಲೆಯೆ ನಿಜವಾದ ಚರಿತ್ರೆಯೆಂದು ಭಾವಿಸಿ, ನಮ್ಮ ನಡುವೆ ಇರಬಹುದಾದ ವಾಸ್ತವ ಚರಿತ್ರೆಯನ್ನು ಲೆಕ್ಕಿಸದೆ ತಿರಸ್ಕಾರಕ್ಕೆ ಗುರಿಪಡಿಸಿದ್ದೇವೆ.

‘ಹಿತ್ತಲಗಿಡ ಮದ್ದಲ್ಲ’ ಎಂಬ ಮನಸ್ಥಿತಿಯು ಒಂದು ಕಾಲದಲ್ಲಿ ಮನೆ ಮಾಡಿಕೊಂಡಿತ್ತು. ಇದಕ್ಕೆ ಕಾರಣವೆಂದರೆ, ಈ ಪ್ರಕಾರದ ಸಾಹಿತ್ಯಕ್ಕೆ ಯಾವುದೇ ಮನ್ನಣೆ ಇಲ್ಲ ಎಂಬುದು ಬಹುತೇಕರ ನಂಬಿಕೆಯಾಗಿತ್ತು. ಆದರೆ ಇಂದು ಪಾಶ್ಚಿಮಾತ್ಯ ವಿಚಾರಧಾರೆಗಳ ಪ್ರಭಾವ ಹಾಗೂ ಕೆಲವು ವಿಶ್ವವಿದ್ಯಾಲಯಗಳು ಕೈಗೊಂಡಿರುವ ಅಲಕ್ಷಿತ ಸಮುದಾಯ ಕೇಂದ್ರಿತ (ಸಬಾಲ್ಟ್ರನ್) ಅಧ್ಯಯನದ ಫಲವಾಗಿ ಇಂದು ಗ್ರಾಮೀಣ ಬದುಕಿನಲ್ಲಿರುವ ಮೌಖಿಕ ಸಾಹಿತ್ಯದ ಬಗ್ಗೆ ಹೆಚ್ಚು ಒಲವುಗಳು ಬೆಳೆಯಲಾರಂಭಿಸಿವೆ. ಇದರಿಂದಾಗಿ ಮೌಖಿಕ ಚರಿತ್ರೆಯನ್ನು ಪ್ರಮುಖ ನೆಲೆಗೆ ತರುವ ಪ್ರಯತ್ನಗಳು ನಡೆಯುತ್ತಿವೆ.

ಗ್ರಾಮೀಣ ಜನತೆಯು ತಮ್ಮದೆ ಆದ ಬದುಕನ್ನು ಕಟ್ಟಿಕೊಂಡು, ತಮ್ಮ ಬದುಕಿನ ಬವಣೆಗಳನ್ನು ಮೌಖಿಕ ಸಾಹಿತ್ಯದಲ್ಲಿ ಮುಂದುವರೆಸಿಕೊಂಡು ಬಂದಿದ್ದಾರೆ. ಇಂತಹ ಗ್ರಾಮೀಣ ಬದುಕಿನಲ್ಲಿ ಅಂತರ್ಗತವಾಗಿರುವ ಚರಿತ್ರೆಯೊಂದನ್ನು ತಮ್ಮ ಸಾಹಿತ್ಯದಲ್ಲಿ ವ್ಯಕ್ತಪಡಿಸುವ ಜಾನಪದ ಹಾಡುಗಾರ್ತಿಯರಲ್ಲಿ ಕಂದಗಲ್ಲು ಓಬಕ್ಕನವರು ಒಬ್ಬರಾಗಿದ್ದಾರೆ.

ದಾವಣಗೆರೆ ತಾಲ್ಲೂಕು ಕಂದಗಲ್ಲು ಗ್ರಾಮದಲ್ಲಿ ನೆಲೆಸಿರುವ ಓಬಕ್ಕ ಸುಮಾರು ನೂರು ವರ್ಷಗಳ ಗಡಿಯಲ್ಲಿದ್ದಾರೆ. ತಮ್ಮ ಬದುಕಿನ ಒಂದು ಭಾಗವಾಗಿ ಸೋಬಾನೆ ಪದಗಳನ್ನು ಮೌಖಿಕವಾಗಿ ಹಾಡಿಕೊಂಡು ಬಂದ ಇವರು, ಜನಪದ ಸಾಹಿತ್ಯದ ಗಣ ಯನ್ನು ತಮಗರಿವಿಲ್ಲದಂತೆ ಕಾಪಾಡಿಕೊಂಡು ಬಂದಿದ್ದಾರೆ. ಪೀಳಿಗೆಯಿಂದ ಪೀಳಿಗೆಗೆ ಮೌಖಿಕವಾಗಿ ಮುಂದುವರೆದುಕೊಂಡು ಬಂದಿರುವ ಈ ಪ್ರಕಾರವು ಇಂದಿನ ಜಾಗತಿಕ ಭರಾಟೆಯಲ್ಲಿ ತನ್ನ ಅಸ್ತಿತ್ವವನ್ನು ಕಳೆದುಕೊಳುವ ಹಂತಕ್ಕೆ ಬಂದು ನಿಂತಿದೆ.

ಓಬಕ್ಕನಿಗೆ ತಾನು ಕಾಪಾಡಿಕೊಂಡು ಬಂದಿರುವ ಈ ಸಾಹಿತ್ಯದ ಸೊಬಗನ್ನು ತನ್ನ ಮುಂದಿನ ಪೀಳಿಗೆಗೂ ಕಲಿಸಬೇಕೆಂಬ ಹಂಬಲವಿದೆ. ಆದರೆ ಇಂದಿನ ಜಾಯಮಾನದ ಮನಸುಗಳಿಗೆ ಇದು ವಲ್ಲದ ತುತ್ತಾಗಿದ್ದು, ನಮ್ಮ ಹೆಣ್ಣು ಮಕ್ಕಳು ಸಿನಿಮಾ ಧಾರಾವಾಹಿಗೆ ಜೋತುಬಿದ್ದಿರುವುದರ ಫಲವಾಗಿ ಸತ್ವಯುತವಾದ ತಮ್ಮ ಮನೆಯ ಸಾಹಿತ್ಯದ ಸೊಬಗನ್ನು ಹೊರಹಾಕಿ, ಅನ್ಯ ಸಂಸ್ಕಕೃತಿಯ ಅನುಕರಣೆ ಮತ್ತು ಸ್ವೀಕಾರದ ಕಾಲಘಟ್ಟದಲ್ಲಿದ್ದೇವೆ. ಇದಕ್ಕೆ ಪ್ರಮುಖವಾದ ಕಾರಣ ನಮ್ಮ ಸಂಸ್ಕಕೃತಿ, ಆಚಾರ, ವಿಚಾರಗಳಲ್ಲಿರುವ ಮೌಲ್ಯಗಳ ತಿಳುವಳಿಕೆಯ ಕೊರತೆಯು ಒಂದಾಗಿದೆ.

ಓಬಕ್ಕನಲ್ಲಿ ನೆಲೆಯೂರಿರುವ ಮೌಖಿಕ ಸಾಹಿತ್ಯದ ಸಾಮಥ್ರ್ಯವನ್ನು ಕುರಿತು ವಿಚಾರಿಸಿದಾಗ ನನಗೆ ದನಿಗೆ ಜೊತೆಗೂಡಿಸುವವರು ಸಿಕ್ಕರೆ ರಾತ್ರಿಯಿಡಿ ನಿರಂತರವಾಗಿ ತಾನು ಕಲಿತಿರುವ ಪದಗಳನ್ನು ಹಾಡುವುದಾಗಿ ಧೈರ್ಯದಿಂದ ಸವಾಲು ಹಾಕುತ್ತಿದ್ದರು. ಓಬಕ್ಕ ನೂರು ವರ್ಷದ ಆಜುಭಾಜಿನಲ್ಲಿದ್ದರೂ ತುಂಬು ಕ್ರಿಯಾಶೀಲತೆಯಿಂದ ಕೆಲಸ ಕಾರ್ಯಗಳನ್ನು ನಿರ್ವಹಿಸುವುದರ ಜೊತೆಗೆ, ಇಂದಿನ ಮಹಿಳೆಯರು ತಮ್ಮ ಮನೆಯಲ್ಲಿ ಮಾಡುವಂತಹ ಸಣ್ಣಪುಟ್ಟ ಕಸೂತಿಯಂತಹ ಕೆಲಸಗಳನ್ನು ಅನುಕರಣೆಯಿಂದ ಕಲಿತು ವಿವಿಧ ಬಗೆಯ ಕಸೂತಿಯ ವಸ್ತುಗಳನ್ನು ತಯಾರಿಸುವ ಸಾಮಥ್ರ್ಯವನ್ನು ಹೊಂದಿದ್ದಾರೆ.

ಸುಮಾರು ಮೂವತ್ತನೇ ವಯಸ್ಸಿನಲ್ಲಿ ತನ್ನ ಗಂಡನನ್ನು ಕಳೆದುಕೊಂಡ ಓಬಕ್ಕ ಬದುಕನ್ನು ಧೈರ್ಯವಾಗಿ ಎದುರಿಸುವ ಎದೆಗಾರಿಕೆಯನ್ನು ಬೆಳೆಸಿಕೊಂಡು ಬಂದಿದ್ದಾರೆ. ಓಬಕ್ಕನಿಗೆ ತಾನು ಕಲಿತಿರುವ ಪದಗಳನ್ನು ಇಂದು ಪ್ರದರ್ಶಿಸುವುದಕ್ಕೆ ಹಲವಾರು ಅಡೆತಡೆಗಳಿವೆ. ಅವುಗಳಲ್ಲಿ ಒಂದು, ತಾನು ವಂಶಪಾರಂಪರ್ಯವಾಗಿ ಉಳಿಸಿಕೊಂಡು ಬಂದಿರುವ ಪದಗಳನ್ನು ಹಾಡುವುದಕ್ಕೆ ದನಿಗೂಡಿಸುವಂತಹ ಸಮಾನ ಮನಸ್ಕರ ಕೊರತೆಯು ಒಂದಾಗಿದೆ. ಎರಡು, ನೂರರ ಗಡಿಯಲ್ಲಿರುವ ಇವರು ದನಿ ಎತ್ತಿ ಹಾಡುವಷ್ಟು ಸಾಮಥ್ರ್ಯವನ್ನು ಕಳೆದುಕೊಂಡಿದ್ದು, ಹೆಚ್ಚು ಸಮಯ ಹಾಡುವುದಕ್ಕೆ ಇವರ ದನಿಯಲ್ಲಿ ಸಾಮಥ್ರ್ಯವಿಲ್ಲ. ಹೀಗಾಗಿ ಇವರ ದನಿಯಲ್ಲಿ ನಡುಕವಿದೆ.

ಇದರಿಂದ ಇಂದು ಈ ಪದಗಳನ್ನು ಹಾಡುವುದಕ್ಕೆ ಅಡಚಣೆ ಉಂಟಾಗುತ್ತದೆ. ಮೂರು, ಇವರಿಗೆ ಪ್ರೊತ್ಸಾಹ ನೀಡಿ ಇವರ ಪದಗಳ ಮಹತ್ವವನ್ನು ಗುರುತಿಸುವವರ ಕೊರತೆಯಿದೆ. ನಾಲ್ಕು, ಇವರಲ್ಲಿನ ಈ ಸಾಹಿತ್ಯವನ್ನು ಆಸಕ್ತಿಯಿಂದ ತಿಳಿಯಬೇಕೆಂಬ ಹಂಬಲವುಳ್ಳವರ ಎದುರು ಹಾಡುವುದಕ್ಕೆ ಇವರಿಗೆ ಮುಜುಗರವಿದೆ. ಇದಕ್ಕೆ ಕಾರಣ ಇಂದಿನ ಕಾಲದಲ್ಲಿ ನಾವು ಹಾಡಿಕೊಂಡು ಬಂದಿರುವ ಹಾಡು (ಪದ)ಗಳಿಗೆ ಬೆಲೆಯಿಲ್ಲ ಎಂಬ ಕೀಳರಿಮೆಯ ಭಾವವನ್ನು ತಮ್ಮಲ್ಲಿ ಬೆಳೆಸಿಕೊಂಡಿದ್ದಾರೆ. ಹಾಗಾಗಿ ಈ ಪದಗಳನ್ನು ಸಂಗ್ರಹಿಸುವುದು ಹಾಗೂ ಇವರಿಗೆ ಸಂಗ್ರಹದ ಅಗತ್ಯತೆಯ ಅರಿವು ಮೂಡಿಸುವುದು ಕೂಡ ತ್ರಾಸದಾಯಕವಾದ ಕೆಲಸವಾಗಿದೆ.

ಇದು ಇಂದು ಈ ಮೌಖಿಕ ಸಾಹಿತ್ಯವನ್ನು ಕಡೆಗಣಿಸಿ ಆಧುನಿಕ ಸಂಗೀತ ಪ್ರಕಾರಕ್ಕೆ ಹೆಚ್ಚು ಜೋತುಬಿದ್ದಿರುವ ಪರಿಣಾಮದಿಂದಾಗಿ ಇಂತಹ ಸಾಹಿತ್ಯ ಪ್ರಕಾರವು ಇಂದು ಅವನತಿಯ ಅಂಚಿನಲ್ಲಿದೆ. ಓಬಕ್ಕನಂತಹ ಎಷ್ಟೋ ಜನಪದರಲ್ಲಿ ಕರಗತವಾಗಿರುವ ಸಾಹಿತ್ಯದ ಸೊಬಗು ಅಳಿವಿನಂಚಿನಲ್ಲಿದೆ.

ನಾನು ನನ್ನ ಬಾಲ್ಯದ ದಿನಗಳಿಂದಲೂ ಓಬಕ್ಕನನ್ನು ಹತ್ತಿರದಿಂದ ನೋಡಿದವನು. ಆದರೆ ನನಗೆ ಓಬಕ್ಕನ ಸಾಹಿತ್ಯದ ಮಹತ್ವ ದರ್ಶನವಾಗಿದ್ದು ನಾನು ಸಂಶೋಧನೆಗೆ ತೊಡಗಿಕೊಂಡ ಬಹುದಿನಗಳ ನಂತರ. ನನಗೆ ಓಬಕ್ಕ ಸಂಬಂಧದಲ್ಲಿ ಅಜ್ಜಿಯಾಗಬೇಕು ಎಂದುಕೊಂಡಿದ್ದೆ. ಆದರೆ ಓಬಕ್ಕನ ಪ್ರಕಾರ ನಾನು ಓಬಕ್ಕನಿಗೆ ತಮ್ಮನಾಗಿದ್ದೆ.

ನೂರು ವರ್ಷದ ಗಡಿಯಲ್ಲಿರು ಓಬಕ್ಕನಿಗೂ ಮೂವತ್ತರ ಗಡಿಯಲ್ಲಿರುವ ನನಗೂ ಅಕ್ಕ-ತಮ್ಮನ ಸಂಬಂಧ ಹೇಗೆ ಸಾಧ್ಯ ಎಂಬುದು ನನಲ್ಲಿ ಗೊಂದಲವನ್ನು ಮೂಡಿಸಿತ್ತು. ಆದರೆ ಓಬಕ್ಕ ಕಟ್ಟಿಕೊಡುವ ವಂಶವೃಕ್ಷದ ಪ್ರಕಾರ ಆಕೆಗೆ ನಾನು ತಮ್ಮನೆ ಆಗಿದ್ದೆ. ಈ ಕಾರಣದಿಂದಾಗಿ ನೂರರ ಪ್ರಾಯದ ಓಬಜ್ಜಿಯನ್ನು ಇಲ್ಲಿ ಓಬಕ್ಕ ಎಂಬುದಾಗಿಯೇ ಸಂಬೋಧಿಸುತ್ತಿದ್ದೇನೆ. ಓಬಕ್ಕನಲ್ಲಿ ಕರಗತವಾಗಿರುವ ಪದಗಳನ್ನು ಸಂಗ್ರಹ ಮಾಡುವಾಗ ನಾನು ಸಂಶೋಧನೆ ಮಾಡುತ್ತಿದ್ದೇನೆ. ನೀನು ಕಲಿತಿರುವ ಪದಗಳನ್ನು ಹಾಡು ಎಂದರೆ ಓಬಕ್ಕ ಹೇಳುವಂತಿರಲಿಲ್ಲ. ಇದಕ್ಕೆ ಕಾರಣ ತನ್ನ ಕಾಲದ ಪದಗಳು (ಸಾಹಿತ್ಯ) ಮಹತ್ವ ಕಳೆದುಕೊಂಡಿದೆ ಎಂಬ ಆತಂಕದಿಂದಲೊ ಅಥವಾ ಬದಲಾದ ಕಾಲಕ್ಕೆ ತಕ್ಕಂತೆ ಹೊಂದಿಕೊಳ್ಳುವ ಮಾನವ ಸಹಜ ಗುಣದಿಂದಲೊ ಓಬಕ್ಕ ಆಧುನಿಕ ಬದುಕಿನಲ್ಲಿ ಬೆರೆತುಕೊಂಡಿರುವ ಸಿನಿಮಾ ಮತ್ತು ಧಾರವಾಹಿ ಪ್ರಪಂಚಕ್ಕೆ ತನ್ನನ್ನು ತೆರೆದುಕೊಂಡಿದ್ದಳು.

ಇಂತಹ ಸಂದರ್ಭದಲ್ಲಿ ಓಬಕ್ಕನನ್ನು ಆಕೆಯ ಸಾಹಿತ್ಯ ಜಗತ್ತಿಗೆ ಕೊಂಡೊಯ್ಯಲು ವಿವಿಧ ತೆರನಾದ ಕಸರತ್ತುಗಳನ್ನು ಪ್ರದರ್ಶಿಸಬೇಕಾಯಿತು. ಕೊನೆಗೆ ನಿನಗೆ ವಯಸ್ಸಾಗಿದೆ, ನಿನ್ನ ಕಾಲದಲ್ಲಿ ಹಾಡುತ್ತಿದ್ದ ಪದಗಳನ್ನೆಲ್ಲ ಮರೆತಿರುವೆ. ನಿನಗೆ ‘ಅರವುಮರುವು’ ಎಂದಾಗ ತನ್ನ ಸಾಮಥ್ರ್ಯವನ್ನು ಪ್ರದರ್ಶಿಸುವ ನೆಲೆಯಲ್ಲಿ ಒಂದೊಂದಾಗಿಯೇ ತನ್ನ ಮನದ ಮೂಲೆಯಲ್ಲಿ ಕೇಂದ್ರಿಕರಿಸಿಕೊಂಡಿದ್ದ ಪದಗಳನ್ನು ಹಾಡುವ ಪ್ರಯತ್ನ ಮಾಡಿದರು.

ಓಬಕ್ಕನ ದನಿಯ ಸಮಸ್ಯೆಯನ್ನರಿತ ನಾನು ಅವರ ಬಳಿ ಒಂದೊಂದೆ ಸಾಲುಗಳನ್ನು ಸ್ಪಷ್ಟವಾಗಿ ತಿಳಿದುಕೊಂಡು ಬರೆಯಲು ಪ್ರಾರಂಭಿಸಿದೆ. ಒಂದು ಪದವನ್ನು ಸಂಪೂರ್ಣವಾಗಿ ಸಂಗ್ರಹಿಸಿದ ತರುವಾಯ ಅದರ ರಾಗ ಮತ್ತು ಲಯವನ್ನು ತಿಳಿಯುವ ಕಾತುರದಿಂದ ನಿಧಾನವಾಗಿ ಅವರಿಂದಲೇ ಪದಗಳನ್ನು ಹಾಡಿಸಿ, ಅವರ ಹಾಡಿನ ರಾಗವನ್ನು ಆಧುನಿಕ ವಿದ್ಯುನ್ಮಾನಗಳಲ್ಲಿ ಸಂಗ್ರಹಿಸಲು ಪ್ರಾರಂಭಿಸಿದೆ.

ಹೀಗೆ ಸಂಗ್ರಹಿಸಿದ ಪದಗಳಲ್ಲಿ ಬಸವಣ್ಣನ ಬದುಕಿಗೆ ಸಂಬಂಧಿಸಿದ ಕೆಲವು ಪದಗಳನ್ನು ಓಬಕ್ಕ ಹಾಡಿದ್ದರು. ನಾವು ಈಗಾಗಲೇ ಚರಿತ್ರೆಯ ಪಠ್ಯಗಳಲ್ಲಿ ಓದಿರುವುದಕ್ಕಿಂತ ಭಿನ್ನವಾದ ದರ್ಶನವೊಂದು ಓಬಕ್ಕನ ಪದಗಳಲ್ಲಿ ಕಂಡುಬಂದಿತು. ಆದ್ದರಿಂದ ಈ ನೆಲೆಯ ಜಾಡುಹಿಡಿದು ಜನಪದರ ಬದುಕಲ್ಲಿ ಕಂಡುಬರುವ ಸಮಾಜ ಸುಧಾರಕನಾದ ಬಸವಣ್ಣನ ಬದುಕನ್ನು ಅನಾವರಣಗೊಳಿಸುವ ನೆಲೆಯಲ್ಲಿ ‘ಓಬಕ್ಕನ ಬಸವದರ್ಶನ’ ಎಂಬ ಈ ಲೇಖನವನ್ನು ರಚಿಸುವ ಪ್ರಯತ್ನವನ್ನು ಇಲ್ಲಿ ಕೈಗೊಳ್ಳಲಾಗಿದೆ.

–2–

ಪ್ರಸ್ತುತ ಲೇಖನದಲ್ಲಿ ಓಬಕ್ಕ ಹಾಡಿದ ಸೋಬಾನೆ ಪದಗಳ (ಹಾಡು) ಮೂಲಕ ಜನಪದರು ಅಥವಾ ಸಾಮಾನ್ಯ ಜನತೆಯು ಸಮಾಜ ಸುಧಾರಕನಾದ ಬಸವಣ್ಣನನ್ನು ಕಾಣುವ ಬಗೆಯನ್ನು ಇಲ್ಲಿ ಚರ್ಚೆಗೆ ಒಳಪಡಿಸಲಾಗುವುದು. ನಮ್ಮ ಜನಪದ ಸಂಸ್ಕೃತಿ ಹಾಗೂ ಪರಂಪರೆಯಲ್ಲಿ ತಳವರ್ಗದ ಜನತೆಯ ಪರವಾಗಿ ಹೋರಾಡಿದ ಬಸವಣ್ಣನನ್ನು ಶಿವನ ಪ್ರತಿರೂಪವಾಗಿ ಸ್ವೀಕರಿಸಲಾಗಿದೆ.

ಇಲ್ಲಿ ಶಿವ ಬೇರೆಯಲ್ಲ, ಬಸವಣ್ಣ ಬೇರೆಯಲ್ಲ. ಇದಕ್ಕೆ ಕಾರಣ ಈ ನಾಡಿನ ಮೂಲ ಸಂಸ್ಕೃತಿಯು ಶೈವ ನೆಲೆಯದಾಗಿರುವುದು. ಹೀಗಾಗಿ ನಮ್ಮ ಜನಪದರು ಶಿವನ ಆರಾಧಕರಾಗಿ ಕಂಡುಬರುತ್ತಾರೆ. ತಮ್ಮ ಸಮುದಾಯದ ಜನತೆಯ ಪರವಾಗಿ ಹೋರಾಟ ನಡೆಸಿದ ಕ್ರಾಂತಿಕಾರರನ್ನು ಶಿವನ ಪ್ರತಿರೂಪವಾಗಿ ಕಾಣುತ್ತಾರೆ. ಆದ್ದರಿಂದ ಇಲ್ಲಿ ಶಿವ ಮತ್ತು ಬಸವಣ್ಣ ಒಂದೆಯಾಗಿ ಕಂಡುಬರುತ್ತಾರೆ. ತಳಸಮುದಾಯದ ಪ್ರಗತಿಗಾಗಿ ಬಸವಣ್ಣ ತನ್ನ ಹೋರಾಟವನ್ನು ನಡೆಸಿದ್ದು ಕ್ರಿ.ಶ 12ನೇ ಶತಮಾನದಲ್ಲಿ. ಆದರೆ ಬಸವಣ್ಣನ ಮೂಲ ಆಶಯಗಳನ್ನು ಸ್ಥಾಪಿತ ಹಿತಾಸಕ್ತಿಗಳು ಅವರ ಇಚ್ಚಾನುಸಾರವಾಗಿ ಬಳಸಿಕೊಂಡು, ಆತನ ವಿಚಾರಗಳ ಅಡಿಯಲ್ಲಿ ಮೂಲಭೂತವಾದ ಧರ್ಮವೊಂದನ್ನು ಸ್ಥಾಪಿಸಿಕೊಂಡು ಬಂದಿವೆ.

ಈ ಸ್ಥಾಪಿತ ಮೌಲ್ಯಗಳಿಂದಾಗಿ ಬಸವಣ್ಣನ ಉದಾರವಾದಿ ನಿಲುವುಗಳನ್ನು ಇಂದು ಹುಡುಕುವುದು ಕೂಡ ಸಾಧ್ಯವಾಗದಷ್ಟು ದೂರ ಸರಿದಿವೆ. ಆದರೆ ತನ್ನ ಹಿತಕ್ಕಾಗಿ ಹೊರಾಡಿದ ಗುರುವನ್ನು ನಿಜದ ನೆಲೆಯಲ್ಲಿ ಆರಾಧಿಸಿಕೊಂಡು ಬಂದಿರುವುದನ್ನು ಜನಪದ ಪರಂಪರೆಯಲ್ಲಿ ಇಂದಿಗೂ ಗುರುತಿಸಬಹುದಾಗಿದೆ.
ಜನಪದರು ಬಸವಣ್ಣನನ್ನು ತಮ್ಮ ವಿಮೋಚನೆಗಾಗಿ ಹೋರಾಡಿದ ದೇವರೆಂದು ಆರಾಧಿಸುವುದು ಮಾತ್ರವಲ್ಲ, ಬಸವಣ್ಣನ ಸಂಕಷ್ಟಗಳನ್ನು ತಮ್ಮ ನೋವುಗಳೆಂಬಂತೆ ಆತನ ನೋವುಗಳಿಗೆ ಮಿಡಿಯುತ್ತಾ ಬಂದಿದ್ದಾರೆ. ಈ ಮನೋಭಾವವು ಜನಪದರಲ್ಲಿನ ಹೃದಯ ವೈಶಾಲ್ಯವನ್ನು ಕಟ್ಟಿಕೊಡುತ್ತದೆ. ಇವರ ಈ ತುಡಿತ ಯಾವುದೇ ಸ್ವಾರ್ಥದಿಂದ ಕೂಡಿದ್ದಲ್ಲ, ಬದಲಾಗಿ ಇಲ್ಲಿ ಸಾಮಾಜಿಕ ಕಳಕಳಿ ಕಂಡುಬರುತ್ತದೆ.

ಶಿಷ್ಟ ಪರಂಪರೆಯು ಬಸವಣ್ಣನ ಮಹಿಮೆಯನ್ನು ತಮ್ಮ ಇಚ್ಚಾನುಸಾರ ವರ್ಣನಾತ್ಮಕ ನೆಲೆಯಲ್ಲಿ ಚಿತ್ರಿಸಿಕೊಂಡು, ಹಲವಾರು ಕಡೆಗಳಲ್ಲಿ ಪ್ರಕ್ಷಿಪ್ತಗಳನ್ನು ಉಂಟುಮಾಡಿದೆ. ಇದಕ್ಕೆ ಕಾರಣ ಸ್ಥಾಪಿತ ಹಿತಾಸಕ್ತಿಗಳಿಗೆ ಧಕ್ಕೆಯಾಗದಂತೆ ಕಾಪಾಡುವ ಮೂಲಕ ಅಸಮಾನತೆಯ ಸಾಮಾಜಿಕ ವ್ಯವಸ್ಥೆಯನ್ನು ಮುಂದುವರೆಸಿಕೊಂಡು ಬಂದಿರುವುದಾಗಿದೆ.

ಇಂತಹ ಪ್ರಕ್ಷಿಪ್ತ ಮಾದರಿಗಳನ್ನು ಹಲವಾರು ಶಿಷ್ಟ ಸಾಹಿತ್ಯ ಕೃತಿಗಳಲ್ಲಿ ಗುರುತಿಸಬಹುದಾಗಿದೆ. ಆದರೆ ಇದಕ್ಕೆ ಪರ್ಯಾಯ ನೆಲೆಯಲ್ಲಿ ಸಾಮಾನ್ಯ ಜನರ ಬದುಕಿಗಾಗಿ ಹೋರಾಡಿದ ಬಸವಣ್ಣನ ನೋವಿಗೆ ಜನಪದರು ತುಡಿಯುತ್ತ ಬಂದಿರುವ ಕೆಲವು ಸೋಬಾನೆ ಪದಗಳು ಈ ಮುಂದಿನಂತಿವೆ.

ಯಾರೇನೆಂದರು ನಿನಗೆ ಸದ್ಗುರು ದೇವ ||
ಬಾರ ದ್ರೋಹಿರಿ ಮನಗೆ
ಸದ್ಗರು ದೇವ | ನಿನಗ್ಯಾರೇನೆಂದರು ||
ಸಣ್ಣನಾಗಲಿ ಬಾಲ | ಲೋಲನಾಗಲಿ ಗುಣ
ಶೀಲನಾಗಲಿ ಮುಕ್ತಿ | ಕೀಲು ತೋರಿದೆ ಗುರುವೆ
ಸದ್ಗುರು ದೇವ | ನಿನಗ್ಯಾರೇನೆಂದರು ||
ಚಾರನೆಂಬುವರೇನು | ಸೂರನೆಂಬುವರೇನು
ಪರಮಾತ್ಮಕ ಸುವ್ವಿ
ಸದ್ಗುರು ದೇವ | ಯಾರೇನೆಂದರು ನಿನಗೆ ||
ಧರೆಯೊಳು ಕೂಡಲಿ | ಪುರದೊಳು ನೆಲೆಸಿರುವ
ವರಶ್ರೀಸಂಗಮ ಬಸವೇಸ್ಪುರಗೆ | ಯಾರೇನೆಂದರು
ಸದ್ಗುರು ದೇವ | ಯಾರೇನೆಂದರು ನಿನಗೆ ||

ಈ ಜನಪದ ಸಾಹಿತ್ಯವು ಬಸವಣ್ಣನ ಅಂತಿಮ ದಿನದ ಬದುಕಿನ ಸಂಕಷ್ಟಗಳನ್ನು ಅನಾವರಣಗೊಳಿಸುತ್ತದೆ. ಇಲ್ಲಿ ಬಸವಣ್ಣ ಮೌನ ತಾಳಿರುವುದಕ್ಕೆ ಹಲವಾರು ಕಾರಣಗಳಿವೆ. ತನ್ನ ಹೋರಾಟದ ಭಕ್ತಿಯ ಮಾರ್ಗವನ್ನು ಕುರಿತು ಬಸವಣ್ಣ ಹೇಳುವ ‘ಭಕ್ತಿಯೆಂಬುದು ಮಾಡಬಾರದು ಕಾಣ| ಗರಗಸವಿದ್ದಂತೆ’ ಎಂಬ ಮಾತು ಆತನ ಬದುಕಿನ ಸಂಕಷ್ಟಗಳನ್ನು ಕಟ್ಟಿಕೊಡುತ್ತದೆ.

ಇಲ್ಲಿ ತನ್ನ ಹೋರಾಟದ ಹಾದಿಯಲ್ಲಿ ಈತನು ಹಲವಾರು ಬಗೆಯ ನೋವನ್ನು ಅನುಭವಿಸಿರುತ್ತಾನೆ. ಒಂದೆಡೆ ಬ್ರಾಹ್ಮಣ್ಯವನ್ನು ಧಿಕ್ಕರಿಸುವ ಮೂಲಕ ಶೂದ್ರ ಸಮುದಾಯದ ಸಮಾನತೆಗಾಗಿ ಹೋರಾಟ ನಡೆಸುತ್ತಾನೆ. ಮತ್ತೊಂದೆಡೆ ಸಮಾಜದ ಪ್ರಬಲ ವರ್ಗವಾದ ಪುರೋಹಿತಶಾಹಿಯನ್ನು ಎದುರು ಹಾಕಿಕೊಳ್ಳುತ್ತಾನೆ.

ಈ ಸಂದರ್ಭದಲ್ಲಿ ರಾಜಾಶ್ರಯದಲ್ಲಿದ್ದ ಬಸವಣ್ಣನಿಗೆ ತಳಸಮುದಾಯದ ಪರವಾದ ಹೋರಾಟ ಮಾಡುವುದಕ್ಕೆ ಸ್ವತಂತ್ರ ಅಸ್ತಿತ್ವ ಇರಲಿಲ್ಲ. ಇಲ್ಲಿ ರಾಜನ ಆಜ್ಞೆಯನ್ನು ತಿರಸ್ಕರಿಸಿದರೆ ತನ್ನ ಪದವಿಯನ್ನು ಕಳೆದುಕೊಳ್ಳುವುದು ಮಾತ್ರವಲ್ಲ, ಕಠಿಣ ಶಿಕ್ಷೆಗೂ ಗುರಿಯಾಗಬೇಕಾದ ಸಂಕಷ್ಟದ ದಿನಗಳು ಬಸವಣ್ಣನ ಮುಂದಿದ್ದವು. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ತಾನು ಕಟ್ಟಿದ ಸಮಾನತೆಯ ಆಶಯಹೊತ್ತ ಅನುಭವ ಮಂಟಪವನ್ನು ಸಮಾನ ನೆಲೆಯಲ್ಲಿ ಮುನ್ನಡೆಸಬೇಕಾಗಿತ್ತು. ಇಂತಹ ಚಾರಿತ್ರಿಕ ಒತ್ತಡದ ಪರಿಸ್ಥಿತಿಯಲ್ಲಿನ ಬಸವಣ್ಣನ ಬದುಕನ್ನು ಕುರಿತು ಜನಪದರು ಆತನ ನೋವಿಗೆ ಮಿಡಿಯುತ್ತ ಬಂದಿದ್ದಾರೆ.

ಜಾನಪದವು ಶಿಷ್ಟ ಸಾಹಿತ್ಯ ಪರಂಪರೆಯಂತೆ ಬಸವಣ್ಣನ ಬದುಕನ್ನು ಹಾಗೂ ಆತನ ಹೋರಾಟದ ನೆಲೆಗಳನ್ನು ದೈವಾಂಶ ಸಂಭೂತ ನೆಲೆಯಲ್ಲಿ ವೈಭವಿಕರಿಸುವುದಿಲ್ಲ. ಜನಪದ ಪರಂಪರೆಯಲ್ಲಿ ಯಾವುದೇ ವೈಭವವಿಲ್ಲದೆ ಆತನ ವಾಸ್ತವ ಬದುಕನ್ನು ತಮ್ಮ ಮೌಖಿಕ ಸಾಹಿತ್ಯದಲ್ಲಿ ಅನಾವರಣಗೊಳಿಸುತ್ತಾರೆ. ಜನಪದರು ಬಸವಣ್ಣನನ್ನು ಶಿಷ್ಟ ಸಾಹಿತ್ಯದಿಂದ ರಚನೆಯಾದ ಚರಿತ್ರೆಯ ಮೂಲಕ ಅಧ್ಯಯನ ಮಾಡಿ ಕಂಡುಕೊಂಡವರಲ್ಲ. ಬದಲಾಗಿ ಕಾಲದಿಂದ ಕಾಲಕ್ಕೆ ಹರಿದುಬಂದ ಮೌಖಿಕ ಪರಂಪರೆಯಿಂದ ಆತನನ್ನು ಕಂಡುಕೊಂಡವರು.

ಹೀಗಾಗಿ ಇಲ್ಲಿ ಆತನ ನೋವು ನಲಿವುಗಳನ್ನು ಯಥಾ ಪ್ರಕಾರವಾಗಿ ಮುಂದುವರೆಸಿಕೊಂಡು ಬಂದಿದ್ದಾರೆ. ‘ಯಾರೇನೆಂದರು ನಿನಗೆ ಸದ್ಗುರು ದೇವ’ ಮತ್ತು ‘ಬಾರ ದ್ರೋಹಿರಿ ಮನಗೆ’ ಎಂಬ ನುಡಿಗಳು ಜನಪದರು ಕಂಡುಕೊಂಡಿರುವ ಬಸವ ದರ್ಶನವನ್ನು ಪ್ರತಿನಿಧಿಸುತ್ತವೆ. ಹೀಗಾಗಿ ಶಿಷ್ಟ ಸಾಹಿತ್ಯವು ಕಟ್ಟಿಕೊಡುವ ಚರಿತ್ರೆಗಿಂತ ಭಿನ್ನವಾದ ಚರಿತ್ರೆಯೊಂದು ನಮ್ಮ ಜಾನಪದರ ಬದುಕಿನೊಳಗೆ ಅಂತರ್ಗತವಾಗಿದೆ.

ಜನಪದರು ಬಸವಣ್ಣನ ನೋವು ನಲಿವುಗಳನ್ನು ಸಮಾನ ನೆಲೆಯಲ್ಲಿ ಚಿತ್ರಿಸಿಕೊಂಡು ಬಂದಿದ್ದಾರೆ. ಇಲ್ಲಿ ಆತನ ಕಲ್ಯಾಣ ಹಾಗೂ ಸರಸ ಸಲ್ಲಾಪಗಳು ಮಾನವ ಸಹಜ ನೆಲೆಯಲ್ಲಿ ವ್ಯಕ್ತವಾಗುತ್ತವೆ. ಬಸವಣ್ಣ ಮತ್ತು ಗಂಗಾಭಿಕೆಯ ಕಲ್ಯಾಣದ ಸಂದರ್ಭವನ್ನು ಹಾಗೂ ಅಲ್ಲಿನ ಸಲ್ಲಾಪದ ಕ್ಷಣಗಳನ್ನು ತಮ್ಮ ಬದುಕಿನೊಂದಿಗೆ ಸಮೀಕರಿಸಿಕೊಂಡು ಬಂದಿರುವುದನ್ನು ನಾವು ಜಾನಪದ ಪರಂಪರೆಯಲ್ಲಿ ಮಾತ್ರ ಗುರುತಿಸಬಹುದಾಗಿದೆ.

ಜನಪದರು ನಿರಂತರವಾಗಿ ಕಾಲದಿಂದ ಕಾಲಕ್ಕೆ ತಾವು ಆಚರಿಸಿಕೊಂಡು ಬಂದಿರುವ ಸಂಪ್ರದಾಯ, ಆಚರಣೆ, ಹಾಸ್ಯ, ವಿನೋದವನ್ನು ಬಸವಣ್ಣನ ಕಲ್ಯಾಣದೊಂದಿಗೆ ಸಮೀಕರಿಸಿಕೊಂಡು ಪದ ಕಟ್ಟಿ ಹಾಡುತ್ತಾ ಬಂದಿದ್ದಾರೆ. ಅದು ಓಬಕ್ಕನ ಸೋಬಾನೆ ಪದಗಳಲ್ಲಿ ಹೀಗೆ ವ್ಯಕ್ತವಾಗಿದೆ.

ಗುರುವಿನ ಮನೆಯಾಗೆ
ಅರುವಿನ ಲಯದಾಗೆ
ಅರುವಿನ ಮಂಟಪದ ಮನೆಯಾಗೆ
ಕರುಣ ಕನೆಂದುಕರೆವರು ಸೋಬಾನೆ||
ಬಸವಯ್ಯ ಶ್ರೀಗಂಗೆ
ಕುಶಲದಿಂ ಕರವಿಡಿದು | ಬಸವಣ್ಣ
ಬಂದು ಹಸೆಯಲ್ಲಿ ಕುಳಿತರು ಸೋಬಾನೆ||
ಪದ್ಮಲೋಚನೆ ಗಂಗೆ
ಎದ್ದು ಸೆರಗ ಬಿಗಿದು | ಮುದ್ದು ಬಸವಯ್ಯಗೆ
ಅರಿಶಿಣವ ಧರಿಸ್ಯಾಳೆ ಸೋಬಾನೆ ||
ಗಂಧ ಹಾಕುಸ್ತಿ ಹಿಡುಲಾಗ ಸೋಬಾನೆ
ಗಂಧ ಮೇಲಕ್ಕೆ ಎಳವುತ ಸೋಬಾನೆ
ಅಂದು ಆರುತಿಯಾ ಬೆಳಗುತ ಸೋಬಾನೆ
ಗಂಧ ಮೇಲಕ್ಕೆ ಎಳವುತ ಶ್ರೀಗಂಗೆ
ಬಂದು ಹಸೆಯಲ್ಲಿ ಕುಳಿತಳು ಸೋಬಾನೆ ||
ಬಸವಯ್ಯ ನೀನೊಮ್ಮೆ
ಎಣ್ಣೆ ಅರಿಶಿಣವ ಧರಿಸಪ್ಪ ಸೋಬಾನೆ
ಬಸವಯ್ಯ ಗಂಧ ಹಾಕುಸ್ತಿ ಹಿಡುಲಾಗ
ಅಂದು ಆರುತಿಯಾ ಬೆಳಗುತ
ಬಂದು ಹಸೆಯಲ್ಲಿ ಕುಳಿತರು ಸೋಬಾನೆ ||
ಬಂದು ಹಸೆಯಲ್ಲಿ ಕುಳಿತರು ಬಸವಣ್ಣ
ಸಸಿಮುಖಿಯರೆಲ್ಲ ನಗುತಾರೆ ಸೋಬಾನೆ ||
ಶರ್ತೆಶ ಕೋಟಿಗೆ ವರ್ಕಾಳ ಸಲಹುತ
ನಿತ್ಯಗೆ ಪರಮ ವಿರಕ್ತನಿಗೆ | ಭೂಗಳಿಯ ಕರ್ತನಿಗೆ
ಜೀವ ಕಮ್ಯಾರ್ತನಿಗೆ ಸೋಬಾನೆ
ಇವ ಸದ್ಗುರು ಬಸವದೇವನಿಗೆ ಸೋಬಾನೆ ||
ಅಂತರಂಗನ ಪೇಟೆ ಸಂತೆಗೊಗನ ತಂಗಿ
ಸಿಂತಿಸುತ ಕೊಂಡೆ ರತುನಾವ ಸೋಬಾನೆ ||
ಸಿಂತುಸುತ ಕೊಂಡೆ ರತುನಾದ ಬೆಳಕಿಲಿ
ಕಾಂತೆ ಕೇಳಮ್ಮ ಕೌತುಕವ ಸೋಬಾನೆ ||
ರತುನಾದ ಬೆಳಕಲಿ ಕಾಂತೆ ಕೇಳಮ್ಮ
ಕೌತುಕವ ಶ್ರೀಗುರು ಬಸವಂಗೆ | ಶಿವನ ಕುಮಾರಂಗೆ
ನಾಗಭೂಷಣ ನಮಿತನಿಗೆ ಸೋಬಾನೆ ||
ಸದ್ಗುರು ಬಸವಯ್ಯ ದೇವನಿಗೆ
ಸತ್ಯ ಸದ್ಗುರುವಂಗೆ | ನಿತ್ಯಸುಳ್ಳಾಡಿ ದಿನಗಳಿದೆ
ಮತ್ತುಟ್ಟೊ ಬಾದೆ ಬಿಡದಮ್ಮ ಸೋಬಾನೆ ||

ಪ್ರಸ್ತುತ ದಿನಗಳಲ್ಲಿ ಸ್ಥಾಪಿತ ನೆಲೆಗೆ ತಳ್ಳಿರುವ ಬಸವಣ್ಣನನ್ನು ಒಂದು ಜಾತಿಯ ನಾಯಕನೆಂದು ಬಿಂಬಿಸುವ ಮೂಲಕ ಉಳಿದಂತ ಸಮುದಾಯಗಳು ‘ಇವ ನಮ್ಮವನಲ್ಲ’ ಎನ್ನುವಂತಹ ಸನ್ನಿವೇಶ ನಿರ್ಮಾಣವಾಗಿದೆ. ಇದಕ್ಕೆ ಬಸವಣ್ಣನ ಸುತ್ತ ಸುತ್ತುವರೆದಿರುವ ಮೂಲಭೂತವಾದ ಧೋರಣೆಯು ಪ್ರಮುಖ ಕಾರಣವಾಗಿದೆ. ಈ ಮೂಲಭೂತವಾದಿ ನೆಲೆಗಳು ಜೀವ ತಳೆಯುವುದು ಶಿಷ್ಟ ಸಮುದಾಯದಲ್ಲಿ ಮತ್ತು ಆಧುನಿಕ ಸಂದರ್ಭದ ಶಿಕ್ಷಿತ ಸಮುದಾಯದಲ್ಲಿ. ಆದರೆ ಈ ಅಸಮಾನತೆಯ ಧೋರಣೆಗಳು ಜನಪದರಲ್ಲಿ ವ್ಯಕ್ತವಾಗಿರುವುದು ಕಂಡುಬರುವುದಿಲ್ಲ. ಇದು ಜನಪದರಲ್ಲಿರುವ ವಿಶ್ವಮಾನವ ಪ್ರಜ್ಞೆಯನ್ನು ಅನಾವರಣಗೊಳಿಸುತ್ತದೆ. ಸಮಾಜದ ಒಳಿತಿಗಾಗಿ ನಿಸ್ವಾರ್ಥದಿಂದ ಹೋರಾಡಿದವರು ಯಾರೇ ಆಗಿರಲಿ, ಅವನು ಯಾವುದೇ ಜಾತಿ, ಸಮುದಾಯಕ್ಕೆ ಸೇರಿದ್ದರು ಸಹ ಅವನನ್ನು ತಮ್ಮ ನಾಯಕನೆಂದು, ದೈವವೆಂದು ಆರಾಧಿಸುತ್ತಾರೆ. ಈ ಕಾರಣದಿಂದ ಮೂಲತಃ ಬ್ರಾಹ್ಮಣನಾದ ಶಿವಶರಣ ಬಸವಣ್ಣನನ್ನು ಕೂಡ ಶಿವ ಸ್ವರೂಪಿಯಾಗಿ ಕಂಡುಕೊಡಿದ್ದಾರೆ. ಆತನ ನೋವು ನಲಿವುಗಳನ್ನು ತಮ್ಮ ನೋವು ನಲಿವುಗಳೊಂದಿಗೆ ಸಮೀಕರಿಸಿಕೊಂಡು ಪದಕಟ್ಟಿ ಹಾಡುತ್ತ ಬಂದಿದ್ದಾರೆ.
ಜಾನಪದರು ಸೃಷ್ಟಿಸಿಕೊಂಡು ಬಂದಿರುವ ಈ ಮೇಲಿನ ಹಾಡಿನಲ್ಲಿ ಬಸವಣ್ಣ ಎಲ್ಲಿಯೂ ರಾಜಪ್ರಭುತ್ವದ ಪ್ರತಿನಿಧಿಯಾಗಿ ಕಂಡುಬರುವುದಿಲ್ಲ.

ಜಾನಪದರ ಬದುಕಿನೊಳಗಿನ ಸಾಮಾನ್ಯ ವ್ಯಕ್ತಿಯಾಗಿ ಪ್ರತಿನಿಧಿಸುತ್ತಾನೆ. ಇಲ್ಲಿ ಬಸವಣ್ಣ ಮತ್ತು ಗಂಗಾಬಿಕೆಯರ ಕಲ್ಯಾಣವನ್ನು ಶಿವ ಮತ್ತು ಗಂಗೆಯರೊಂದಿಗೆ ಸಮೀಕರಿಸಿಕೊಂಡು ಬಂದಿದ್ದಾರೆ. ಇದು ಜನಪದ ಪರಂಪರೆಯಲ್ಲಿನ ವಿಶಿಷ್ಟ ದರ್ಶನವಾಗಿ ಕಂಡುಬರುತ್ತದೆ. ಶಿಷ್ಟ ಪರಂಪರೆಯು ಎಲ್ಲವನ್ನು ಹೊಡೆದು ನೋಡುವಂತಹ ಮೂಲಭೂತವಾದಿ ಗುಣಗಳನ್ನು ಸೃಷ್ಟಿಸುತ್ತ ಬಂದಿರುವ ಸಂದರ್ಭದಲ್ಲಿ, ಇದಕ್ಕೆ ಪರ್ಯಾಯವೆಂಬಂತೆ ಜನಪದ ಪರಂಪರೆಯು ಎಲ್ಲವನ್ನು ಸಮೀಕರಿಸಿಕೊಂಡು ಬಂದಿರುವುದನ್ನು ಈ ಪದಗಳಲ್ಲಿ ಗುರುತಿಸಬಹುದಾಗಿದೆ. ಇದು ಶಿಷ್ಟ ಪರಂಪರೆಗೆ ಜನಪದ ಪರಂಪರೆಯು ಒಡ್ಡುತ್ತ ಬಂದಿರುವ ಪ್ರತಿರೋಧದ ನೆಲೆಯೂ ಹೌದು. ಶಿಷ್ಟರು ಅಸಮಾನತೆಯ ವಿರುದ್ಧ ಹೋರಾಡಿದ ಬಸವಣ್ಣನ್ನು ಒಂದು ಜಾತಿ, ಸಮುದಾಯಕ್ಕೆ ಕೇಂದ್ರಿಕರಿಸುವ ಮೂಲಕ ಅನಾರೋಗ್ಯಕರ ಸಮಾಜವನ್ನು ನಿರ್ಮಾಣ ಮಾಡುತ್ತ ಬಂದಿದ್ದಾರೆ. ಆದರೆ ಜನಪದರು ಸಮಾಜ ಸುಧಾರಕ ಬಸವಣ್ಣನನ್ನು ಶಿವನೊಂದಿಗೆ ಸಮೀಕರಿಸುವ ಮೂಲಕ ಗುಪ್ತಗಾಮಿನಿಯಂತೆ ಆರೋಗ್ಯಕರವಾದ ಸಮಾಜವನ್ನು ಕಟ್ಟುತ್ತ ಬಂದಿದ್ದಾರೆ. ಹೀಗಾಗಿಯೆ ಇಂದಿಗೂ ಬಸವಣ್ಣ ತಳಸಮುದಾಯದ ಜನತೆಯ ಅಂತರಾಳದಲ್ಲಿ ನೆಲೆಯೂರಿದ್ದಾನೆ.

ಇದೇ ಪದ (ಹಾಡು) ದಲ್ಲಿ ಕೊನೆಯದಾಗಿ ಕಂಡುಬರುವ ಸಾಲು ಜನಪದರ ಸ್ವಾಮಿ ನಿಷ್ಠೆಯನ್ನು ಎತ್ತಿಹಿಡಿಯುತ್ತದೆ. ‘ಸತ್ಯ ಸದ್ಗುರುವಂಗೆ ನಿತ್ಯಸುಳ್ಳಾಡಿ ದಿನಗಳಿದೆ ಮತ್ತುಟ್ಟೊ ಬಾದೆ ಬಿಡದಮ್ಮ ಸೋಬಾನೆ’ ಎಂಬುದು ಇವರ ಸ್ವಾಮಿನಿಷ್ಠೆಯ ಪ್ರತೀಕವಾಗಿದೆ. ಈ ನಿಷ್ಠೆಯಿಂದಾಗಿಯೇ ತಳಸಮುದಾಯವು ಮೂಲಭೂತವಾದಿಗಳು ತಮ್ಮ ಅನುಕೂಲಕ್ಕಾಗಿ ಸೃಷ್ಠಿಸಿರುವ ಕಪಟ ತಂತ್ರಗಳನ್ನು ತಮ್ಮ ಬದುಕಿನ ಭಾಗವೆಂಬಂತೆ ಅನಿವಾರ್ಯವಾಗಿ ಮುಂದುವರೆಸಿಕೊಂಡು ಬಂದಿದ್ದಾರೆ.

ಬಸವಣ್ಣನ ವಿಚಾರಗಳನ್ನು ಮೀರಿದರೆ, ಆತನ ತತ್ವ ಚಿಂತನೆಗಳಿಗೆ ವಿರುದ್ಧವಾಗಿ ನಡೆದುಕೊಂಡರೆ ಮುಂದಿನ ಜನ್ಮದಲ್ಲೂ ಇದೇ ನರಕವನ್ನು ಅನುಭವಿಸಬೇಕಾಗುತ್ತದೆ ಎಂಬುದು ಇವರ ನಂಬಿಕೆಯಾಗಿದೆ. ಹೀಗಾಗಿಯೇ ಬಸವಣ್ಣನ ಮೂಲ ತತ್ವ ಸಿದ್ಧಾಂತಗಳು ಇಂದಿಗೂ ಜೀವಂತಿಕೆಯನ್ನು ಪಡೆದುಕೊಂಡಿದ್ದು, ಇವನ್ನು ತಮ್ಮ ಬದುಕಿನ ಒಂದು ಭಾಗವೆಂಬಂತೆ ಮುಂದುವರೆಸಿಕೊಂಡು ಬಂದಿದ್ದಾರೆ.

ಆದರೆ ಮೂಲಭೂತವಾದಿ ಮನಸ್ಥಿತಿಗಳು ಬಸವಣ್ಣನ ವಿಚಾರಧಾರೆಗಳನ್ನು ತೊಡೆದುಹಾಕಿ, ಆತನ ಪ್ರತಿಮೆಯ ಮೂಲಕವೇ ಮೂಲಭೂತವಾದ ಧರ್ಮವೊಂದನ್ನು ಪ್ರತಿಷ್ಠಾಪಿಸಿಕೊಂಡು ರಾಜರೋಷವಾಗಿ ವೈಚಾರಿಕತೆಯ ಹರಿಕಾರನಾದ ಬಸವಣ್ಣನಿಗೆ ಅಪಮಾನವೆಸಗುತ್ತಿದ್ದಾರೆ. ಇಲ್ಲಿ ಜನಪದರು ಬಸವನಿಗೆ ಸುಳ್ಳಾಡಿದರೆ, ತಪ್ಪಾಗಿ ನಡೆದುಕೊಂಡರೆ ನಮಗೆ ಶಿಕ್ಷೆ ತಪ್ಪಿದ್ದಲ್ಲ ಎಂಬುದಾಗಿ ತಮ್ಮೆಲ್ಲ ಕಾರ್ಯಗಳನ್ನು ಆತ್ಮವಿಮರ್ಶೆ ಮಾಡಿಕೊಂಡರೆ, ಶಿಷ್ಟ ಸಮುದಾಯವು ತಾವು ಮಾಡುತ್ತಿರುವ ಕಾರ್ಯ ಬಸವನಿಗೆ ಸಂಪೂರ್ಣ ವಿರುದ್ಧವಾದುದೆಂದು ತಿಳಿದಿದ್ದರೂ ಇವರೆಲ್ಲಿಯೂ ಇಂತಹ ಆತ್ಮವಿಮರ್ಶೆಗೆ ಮುಂದಾಗಿರುವ ನಿದರ್ಶನಗಳು ಚರಿತ್ರೆಯಲ್ಲಾಗಲಿ, ಇವರ ಧರ್ಮಗ್ರಂಥ, ಪುರಾಣಗಳಲ್ಲಾಗಲಿ ಕಂಡುಬರುವುದಿಲ್ಲ. ಇದು ಜನಪದರು ಕಂಡುಕೊಂಡಿರುವ ಬಸವದರ್ಶನ, ಹಾಗೆಯೇ ಅವರ ಜೀವನ ದರ್ಶನವಾಗಿದೆ.

ಜನಪದರು ಅಕ್ಷರ ವಂಚಿರಾದರೂ ಲೋಕಜ್ಞಾನವನ್ನು ದಾರ್ಶನಿಕ ನೆಲೆಯಲ್ಲಿ ಅರಿತುಕೊಂಡವರು. ಇಲ್ಲಿನ ಹಾಡಿನಲ್ಲಿ ಕಂಡುಬರುವಂತೆ ಬಸವಣ್ಣನು ಬಿಜ್ಜಳನ ಆಸ್ಥಾನದಲ್ಲಿ ಆರ್ಥಿಕ ಮಂತ್ರಿಯಾಗಿದ್ದ ವಾಸ್ತವವನ್ನು ಅರಿತುಕೊಂಡಿದ್ದಾರೆ. ಆದರೆ ಈ ಸತ್ಯ ಜನಪದರಿಗೆ ತಿಳಿದಿದ್ದಾದರೂ ಹೇಗೆ ಎಂಬ ಅನುಮಾನ ಕಾಡುತ್ತದೆ. ಅಷ್ಟೇ ಅಲ್ಲದೆ ಇವರು ಬಸವಣ್ಣನನ್ನು ಕೇವಲ ಮಂತ್ರಿಯಾಗಿ ನೋಡುವುದಿಲ್ಲ. ಬಸವಣ್ಣನನ್ನು ಅಧಿಕಾರದ ನೆಲೆಯಲ್ಲಿ ನೋಡದೆ ಸಮಾನತೆಯನ್ನು ಸಾರಿದ ಕ್ರಾಂತಿ ಪುರುಷನಾಗಿ ನೋಡುತ್ತಾರೆ. ಹೀಗಾಗಿಯೇ ಇಲ್ಲಿ ಬಸವಣ್ಣನನ್ನು ಕುರಿತು ವಣ ್ಸುವಾಗ ‘ಗುರುವಿನ ಮನೆಯಾಗೆ ಅರುವಿನ ಲಯದಾಗೆ, ಅರುವಿ ಮಂಟಪದ ಮನೆಯಾಗೆ ಕರುಣ ಕನೆಂದು ಕರೆವರು’ ಎಂಬುದಾಗಿ ಆತನ ಬದುಕಿನ ಚಿತ್ರಣವನ್ನು ಕಟ್ಟಿಕೊಡುತ್ತಾರೆ. ಈ ಮಂತ್ರಿಯಾದ ಬಸವಣ್ಣನನ್ನು ತಮ್ಮ ಬದುಕಿಗೆ ಹತ್ತಿರವಾದ ನೆಲೆಯಲ್ಲಿ ಜನಪದರು ಸೃಷ್ಟಿಸಿಕೊಂಡಿದ್ದಾರೆ. ಗುರುವಿನ ಮನೆ ಮತ್ತು ಅರುವಿನ ಲಯ ಎಂಬ ಜನಪದರ ಪರಿಕಲ್ಪನೆಯು ಅನುಭವ ಮಂಟಪದ ಕುರಿತಾಗಿದೆ. ಜನಪದರಿಗೆ ಅನುಭವ ಮಂಟಪವು ಗುರುವಿನ ಮನೆಯಷ್ಟೆ ಅಲ್ಲದೆ ಅರಿವಿನ ತಾಣವು ಹೌದು. ಈ ಸೃಷ್ಟಿಯು ನಾವು ಲಿಖಿತ ಚಾರಿತ್ರಿಕ ದಾಖಲೆಗಳಾದ ವಚನಗಳು ಹಾಗೂ ಶಾಸನಗಳಲ್ಲಿ ಬಸವಣ್ಣನನ್ನು ನೋಡಿರುವುದಕ್ಕಿಂತ ಭಿನ್ನವಾದ ಬಸವ ದರ್ಶನವು ಜನಪದರಲ್ಲಿ ಕಂಡುಬರುತ್ತದೆ.

ಚಿನ್ನದ ಸಿಂಬೆಯ ಸುತ್ತಿ ರನ್ನದ ಕೊಡವ ತಗುದೆ
ಜಲದಿ ಲಗ್ಣಿಯ ಮಗುವಳೆ ಸೋಬಾನೆ ||
ಜಲದಿ ಲಗ್ಣಿಯ ಮಗುವ ಶರಣ ಯ ಕಂಡೆ
ಶಿವಶರಣರು ಜಪವ ಮರೆತಾರೆ ಸೋಬಾನೆ ||
ಶಿವಶರಣರು ಜಪವಿನ್ನು ಮರೆತು ಕೇಳ್ಯಾರೆ
ಯಾವ ಜಂಗಮರ ಮಗಳಮ್ಮ ಸೋಬಾನೆ ||
ಜಂಗಮರ ಸೊಸಿಯಯ್ಯ ಲಿಂಗ ಉಳ್ಳರು ಮಗಳು
ಬಿಂಗಿಬ್ರಹ್ಮನ ಕಿರಿ ತಂಗಿ ಸೋಬಾನೆ ||
ಬಿಂಗಿನೇ ಬ್ರಹ್ಮರ ಕಿರಿ ತಂಗಿ ಗುರುಗಳೇ
ನೀವ್ ಬನ್ನಿರಿ ನಮ್ಮ ಅರಮನೀಗೆ ಸೋಬಾನೆ ||
ಲಿಂಗೇನ ಉಳ್ಳರೇ ನಿಜವುಳ್ಳ ಭಕ್ತರೇ
ಸಂಗಮನಯ್ಯ ಬಸವಣ್ಣ ಸೋಬಾನೆ ||
ಸಂಗುಮನಯ್ಯ ಬಸವಣ್ಣ ಮೂವರೇ
ಬಂದಾರು ಗಿರಿರಾಜರ ಅರಮನೆಗೆ ಸೋಬಾನೆ ||
ಎಂದು ಬರದ ಬಸವಣ್ಣ ಈಗ್ಯಾಕೆ ಬಂದ್ಯಪ್ಪ
ಕುಂದಾರಗೊಳ್ಳ ಮಣ ಗೊಳ್ಳ ಸೋಬಾನೆ ||
ಕುಂದ್ರಾಕೆ ಬಂದಿಲ್ಲ ನಿದ್ರಾಕೆ ಬಂದಿಲ್ಲ
ಸಣ್ಣಳು ಗಿರಿಜಮ್ಮನ ಕೇಳಾ ಬಂದೆ ಸೋಬಾನೆ ||
ತುಪ್ಪನ್ನ ಉಣ್ಣವಳೆ ಪಟ್ಟೆಸೀರೆ ಉಡುವೋಳೆ
ಪಟ್ಟೆ ಮಂಚುದುಲೆ ಮಲಗೋಳೆ ಸೋಬಾನೆ ||
ಪಟ್ಟೇನೆ ಮಂಚುದುಲೇ ಮಲಗುವಳೆ ಗಿರಿಜಮ್ಮ
ಚಿಕ್ಕೊಳು ಗಿರಿಜಮುನ ಕೊಡುಲಾರೆ ಸೋಬಾನೆ ||
ಹಾಲನ್ನ ಉಣ್ಣವಳೇ ಸಾಗಿಸೀರುಡುವೋಳೆ
ಸಾಮ ಮಂಚುದುಲೆ ಮಲಗೋಳೆ ಸೋಬಾನೆ ||
ಸಾಮೇನೆ ಮಂಚುದುಲೆ ಮಲಗೋಳೆ ಗಿರಿಜಮ್ಮ
ಸಣ್ಣಳು ಗಿರಿಜಮುನ ಕೊಡುಲಾರೆ ಸೋಬಾನೆ ||
ಹಟ್ಯಾಗೆ ಗಿರಿಜಮ್ಮ ಕುಟ್ಟುತೇನ್ ಪಾಡ್ಯಾಳೆ
ಅಪ್ಪೋಜಿ ನನ್ನ ಕೊಡುತಾರೆ ಸೋಬಾನೆ ||
ಅಪ್ಪೋಜಿ ನನ್ನ ಕೊಡುತಾರೆ ಕೈಲಾಸದ
ಎಪ್ಪತ್ತೊಂದ್ ಜಡಿಯ ತ್ರಬಸಿಗೆ ಸೋಬಾನೆ ||
ಒಣ್ಯಾಗೆ ಗಿರಿಜಮ್ಮ ಹಾಡುತೇನ್ ಪಾಡ್ಯಾಳೆ
ಅಣ್ಣೋಜಿ ನನ್ನ ಕೊಡುತಾರೆ ಸೋಬಾನೆ ||
ಅಣ್ಣೋಜಿ ನನ್ನ ಕೊಡುತಾರೆ ಕೈಲಾಸದ
ಹನ್ನೊಂದೇ ಜಡೆಯ ತ್ರಬಸಿಗೆ ಸೋಬಾನೆ ||
ಊರಾಗೆ ಮನೆಯಿಲ್ಲ ಅಡುವ್ಯಾಗೆ ಹೊಲವಿಲ್ಲ
ಎತ್ತ ಕಟ್ಟುವರ ಅರಮನೆ ಸೋಬಾನೆ ||
ಎತ್ತೇನೆ ಕಟ್ಟುವ್ರ ಅರಮನೆ ಗಿರಿಜಮ್ಮ
ಅವ್ರನ ನೀನು ಭ್ರಮಿಸಿದ ಸೋಬಾನೆ ||
ಹೋಳಿಗೆ ಕರ್ಜಿಕಾಯಿ ಜೋಳಿ ತುಂಬೈದಾವೆ
ಹೋಳಿಗೆ ಮೂರುಲೋಕ ಸಲುವೈದಾವೆ ಸೋಬಾನೆ ||
ಹೋಳಿಗೆ ಮೂರುಲೋಕ ಸಲುವ್ಯಾವೆ ಕೈಲಾಸದ
ಮುಕ್ಕಣ್ಣ ನೀನು ಜರುದಿಯೋ ಸೋಬಾನೆ ||
ಚಕ್ಕುಲಿ ಕರ್ಜಿಕಾಯಿ ಕಕ್ಕುಸುತುಂಬೈದಾವೆ
ಕಕ್ಕುಸು ಮೂರುಲೋಕ ಸಲಿವ್ಯಾವೆ ಸೋಬಾನೆ ||
ಕಕ್ಕಸ ಮೂರುಲೋಕ ಸಲುವ್ಯಾವೆ ಕೈಲಾಸದ
ಮಾದೇವ್ರು ನೀನು ಜರುದಿಯೋ ಸೋಬಾನೆ ||
ಚಿನ್ನದ ಸರ ಹರಿದಿರಿ ಕೆನ್ನೆಮೇಲ್ ಹೊಡದೀರಿ
ಬಿಟ್ಟು ಬನ್ನಿ ಗಿರಿಜೆ ಗಿರಿದೂರ ಸೋಬಾನೆ ||
ಮುತ್ತಿನ ಸರ ಹರಿದಿರಿ ನೆತ್ತಿಮ್ಯಾಲ್ ಹೊಡದೀರಿ
ಬಿಟ್ಟು ಬನ್ನಿ ಗಿರಿಜೆ ಗಿರಿದೂರ ಸೋಬಾನೆ ||

ಈ ಹಿಂದೆ ತಿಳಿಸಿದಂತೆ ಜಾನಪದರು ಶಿವ ಮತ್ತು ಬಸವಣ್ಣನನ್ನು ಬೇರೆ ಬೇರೆಯಾಗಿ ನೋಡುವುದಿಲ್ಲ. ಇವರಿಬ್ಬರನ್ನು ಒಂದೆಯಾಗಿ ಸ್ವೀಕರಿಸಿದ್ದಾರೆ. ಶಿವ, ಬಸವಣ್ಣ ಹಾಗೂ ಗಿರಿಜೆಯ ಪ್ರಸ್ತಾಪವಿರುವ ಈ ಹಾಡಿನಲ್ಲಿ ಶಿವಶರಣನಾದ ಬಸವಣ್ಣನನ್ನು ಶಿವ ಸ್ವರೂಪಿಯಾಗಿಸಿರುವುದನ್ನು ಕಾಣಬಹುದಾಗಿದೆ. ಮಾನವನ ಸಹಜ ಬದುಕಿನ ನೆಲೆಯಲ್ಲಿ ಚಿತ್ರಿತವಾಗಿರುವ ಬಸವನನ್ನು ಜಾನಪದ ಪರಂಪರೆಯಲ್ಲಿ ಗುರುತಿಸಬಹುದಾಗಿದೆ. ಶಿವ ಮತ್ತು ದಕ್ಷಬ್ರಹ್ಮರ ಕಥೆಯನ್ನು ಹೋಲುವ ಈ ಜಾನಪದ ಹಾಡಿನಲ್ಲಿ ಬಸವನನ್ನು ಸಮೀಕರಿಸಿಕೊಂಡು ಬಂದಿದ್ದಾರೆ. ಇಲ್ಲಿ ಶಿವ ಪಾರ್ವತಿಯರ ವೈವಾಹಿಕ ಜೀವನಕ್ಕೆ ಸಂಬಂಧಿಸಿದ ಚಿತ್ರಣಗಳನ್ನು ಅನಾವರಣಗೊಳಿಸುವ ಸಂದರ್ಭದಲ್ಲಿ ಬಸವಣ್ಣನ್ನು ಸಮೀಕರಿಸಿಕೊಂಡಿರುವ ಬಗೆಯು ವಿಶೇಷವಾಗಿ ಕಂಡುಬರುತ್ತದೆ. ಇದು ಜಾನಪದ ಬದುಕಿನ ದಾರ್ಶನಿಕ ಆಯಾಮವಾಗಿ ಕಂಡುಬರುತ್ತದೆ.
ಜಾನಪದ ಬದುಕಿನಲ್ಲಿ ದರ್ಶನಗೊಳ್ಳುವ ಬಸವಣ್ಣ ಯಾವುದೇ ಜಾತಿ, ಮತ, ಪಂಥಕ್ಕೆ ಸೀಮಿತವಾಗುವುದಿಲ್ಲ. ಇಲ್ಲಿ ಇವನೊಬ್ಬ ವಿಶ್ವಮಾನವನಾಗಿ ಮುಖಾಮುಖಿಯಾಗುತ್ತಾನೆ. ನಾವು ಹೀಗಾಗಲೇ ಓದಿ ತಿಳಿದಿರುವ ಬಸವಣ್ಣನಿಗಿಂತ ಭಿನ್ನವಾದ ಬಸವಣ್ಣ ನಮ್ಮ ಮೌಖಿಕ ಪರಂಪರೆಯಲ್ಲಿ ಕಂಡುಬರುತ್ತಾನೆ. ನಮ್ಮ ಲಿಖಿತ ಪಠ್ಯ, ಶಾಸನ ಹಾಗೂ ಚರಿತ್ರೆಯ ಗ್ರಂಥಗಳು ಬಸವಣ್ಣನನ್ನು ಒಬ್ಬ ಮಂತ್ರಿಯಾಗಿ, ಯುದ್ದ, ಹೋರಾಟದ ಭಾಗವಾಗಿ ಮಾತ್ರ ಪರಿಚಯಿಸುತ್ತವೆ. ಆದರೆ ಅದರಾಚೆಗಿನ ಮಾನವ ಸಹಜವಾದ ಬಸವಣ್ಣನನ್ನು ನಾವು ಈ ಪ್ರಕಾರಗಳಲ್ಲಿ ನೋಡಲು ಸಾಧ್ಯವೇ ಇಲ್ಲ. ಆದರೆ ಮೌಖಿಕ ಪ್ರಕಾರದಲ್ಲಿ ಬಸವಣ್ಣ ರಾಜಪ್ರಭುತ್ವದಿಂದ ಹೊರಬಂದು ಮಾನವ ಸಹಜ ನೆಲೆಯಲ್ಲಿ ಕಂಡುಬರುತ್ತಾನೆ. ಜನಪದ ಪರಂಪರೆಯಲ್ಲಿ ಕಂಡುಬರುವ ಈ ಮಾನವ ಸಹಜ ಬಸವ ದರ್ಶನಕ್ಕೆ ಕಾರಣವೂ ಇದೆ. ಜನಪದ ಬದುಕು ಪ್ರಕೃತಿ ಸಹಜವಾಗಿರುವಂತದ್ದು. ಇಲ್ಲಿ ಯಾರು ರಾಜನಾದರೇನು ಸಾಮಾನ್ಯ ಜನತೆಗೆ ಇದರಿಂದ ಯಾವುದೇ ಪ್ರಯೋಜನವಾಗಿರುವುದು ಕಂಡುಬರುವುದಿಲ್ಲ. ಗ್ರಾಮೀಣ ಭಾಗದಲ್ಲಿ ಒಂದು ಗಾದೆ ಮಾತಿದೆ; ‘ಯಾರು ಮಂತ್ರಿಯಾದರೇನು ರಾಗಿ ಬೀಸುವುದು ತಪ್ಪುವುದಿಲ್ಲ’, ಹಾಗೆಯೇ ‘ರಾಮರಾಜ್ಯದಲ್ಲೂ ರಾಗಿ ಬೀಸುವುದು ತಪ್ಪಿದ್ದಲ್ಲ’ ಎಂಬ ಗಾದೆಮಾತುಗಳು ಸಾಮಾನ್ಯ ಜನತೆಯ ಬದುಕಿನ ಸ್ಥಿತಿಯನ್ನು ಪ್ರತಿನಿಧಿಸುತ್ತದೆ. ಅದರಂತೆ ಜಾನಪದರಿಗೆ ರಾಜಪ್ರಭುತ್ವ ಮುಖ್ಯವಾಗುವುದಿಲ್ಲ. ಸಾಮಾನ್ಯ ಜನತೆಯ ಪರವಾಗಿ ಹೋರಾಡಿದ ಸಾಂಸ್ಕøತಿಕ ನಾಯಕ ಮುಖ್ಯವಾಗುತ್ತಾನೆ. ಈ ಕಾರಣದಿಂದಾಗಿಯೇ ನಮ್ಮ ಜನಪದರು ಮಲೆಮಾದೇಶ್ವರ, ಮಂಟೇಸ್ವಾಮಿ, ಜುಂಜಪ್ಪ, ಗಾದ್ರಿಪಾಲನಾಯಕ, ಕುಮಾರ ರಾಮರಂತಹ ಸಾಂಸ್ಕøತಿಕ ನಾಯಕರನ್ನು ಸ್ಮರಿಸುತ್ತ ಬಂದಿದ್ದಾರೆಯೇ ಹೊರತು ರಾಜ್ಯಭಾರ ಮಾಡಿದ ಬಿಜ್ಜಳ, ಕೃಷ್ಣದೇವರಾಯರಂತಹ ರಾಜರನ್ನು ಮುಖ್ಯವೆಂದು ಪರಿಗಣ ಸಿರುವುದು ಕಂಡುಬರುವುದಿಲ್ಲ. ಈ ಕಾರಣದಿಂದಾಗಿಯೇ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದ ಬಸವಣ್ಣನಿಗಿಂತ ಮುಖ್ಯವಾಗಿ ಸಾಮಾಜಿಕ ಸಮಾನತೆಗಾಗಿ ಶ್ರಮಿಸಿದ ಮಾನವ ಸಹಜ ವ್ಯಕ್ತಿಯಾದ ಬಸವಣ್ಣನನ್ನು ಆರಾಧಿಸುತ್ತ ಬಂದಿದ್ದಾರೆ.
ಶಿಷ್ಟ ಪರಂಪರೆಯು ಬಸವಣ್ಣನನ್ನು ರಾಜಪ್ರಭುತ್ವದ ಒಂದು ಭಾಗವಾಗಿಯೇ ಚಿತ್ರಿಸಿಕೊಂಡು ಬಂದಿದೆ. ಇವರಿಗೆ ಮಾನವ ಸಹಜವಾದ ಬಸವ ಮುಖ್ಯವಾಗುವುದಿಲ್ಲ.

ಅಷ್ಟೇ ಅಲ್ಲದೇ ಈ ಶಿಷ್ಟ ಪ್ರಕಾರವು ಬಸವನನ್ನು ಜಾತಿ, ಮತ, ಪಂಥಗಳಾಚೆ ಹೋಗಲು ಬಿಡುವುದಿಲ್ಲ. ಜಾತಿ, ಮತ, ಪಂಥಗಳನ್ನು ಮೀರಿ ಸಮಾಜದ ಸುಧಾರಣೆಗಾಗಿ ಶ್ರಮಿಸಿದ ಬಸವನನ್ನು ಬಲವಂತವಾಗಿ ಸ್ಥಾಪಿತ ವ್ಯವಸ್ಥೆಯ ಅಡಿಯಲ್ಲಿ ಬಂಧಿಸುವ ತಂತ್ರಗಾರಿಕೆ ಶಿಷ್ಟ ಸಾಹಿತ್ಯದ ಒಂದು ಭಾಗವಾಗಿ ಕಂಡುಬರುತ್ತದೆ. ಆದರೆ ಬಸವಣ್ಣನ ಮೂಲ ಆಶಯಗಳು ಮಾತ್ರ ಜಾನಪದ ಬದುಕಿನೊಳಗೆ ಯಥಾ ಪ್ರಕಾರವಾಗಿ ಮುಂದುವರೆದಿವೆ. ಬಸವ ಇನ್ನು ಜೀವಂತವಾಗಿರುವುದಾದರೆ ಅದು ಜಾನಪದರ ಬದುಕಿನಲ್ಲಿ ಮಾತ್ರ ಎಂಬುದನ್ನು ಈ ಮೇಲೆ ಉಲ್ಲೇಖಿಸಿರುವ ಸೋಬಾನೆ ಹಾಡುಗಳಲ್ಲಿ ಗುರುತಿಸಬಹುದಾಗಿದೆ.

( ಲೇಖಕರು: ಕೆ.ಎ.ಓಬಳೆಶ್, ಸಂಶೋಧನ ವಿದ್ಯಾರ್ಥಿ, ಕನ್ನಡ ಸಾಹಿತ್ಯ ಅಧ್ಯಯನ ವಿಭಾಗ ಕನ್ನಡ ವಿಶ್ವವಿದ್ಯಾಲಯ, ಹಂಪಿ)

Leave a Reply

Your email address will not be published. Required fields are marked *

Trending

Exit mobile version