Connect with us

ದಿನದ ಸುದ್ದಿ

ಕನ್ನಡ- ರಾಜ್ಯ ರಾಜ್ಯೋತ್ಸವ ಮತ್ತು ಕರ್ನಾಟಕ

Published

on

  • ನಾ ದಿವಾಕರ

ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು ” ಈ ಕವಿವಾಣಿ ಸದಾ ನಮ್ಮ ನಡುವೆ ಗುನುಗುನಿಸುತ್ತಿರುತ್ತದೆ. ಕನ್ನಡ ನಾಡು ಎನ್ನುವ ಅಮೂರ್ತ ಕಲ್ಪನೆಗೆ ಶತಮಾನಗಳ ಇತಿಹಾಸಿದೆ. ಮೂರ್ತ ರೂಪದ ಕನ್ನಡ ನಾಡು ಅಥವಾ ಕರ್ನಾಟಕ 64 ವರ್ಷಗಳನ್ನು ಪೂರೈಸಿ ಮುನ್ನಡೆಯುತ್ತಿದೆ.

ಈ ಬಾರಿ ರಾಜ್ಯೋತ್ಸವದ ಉತ್ಸಾಹ ಮತ್ತು ಆಡಂಬರಕ್ಕೆ ಕೋವಿದ್19 ಅಡ್ಡಿಯುಂಟುಮಾಡಿದೆ. ಕೋವಿದ್ 19 ತನ್ನ ಪಯಣವನ್ನು ಮುಂದುವರೆಸಿದ್ದರೂ ಕನ್ನಡ ನಾಡಿನ ಸಾಹಿತ್ಯ ಲೋಕದ ಕೋವಿದರು ಹೆಚ್ಚು ಸದ್ದುಮಾಡಬೇಕಿತ್ತೇನೋ ಎನ್ನುವ ನೋವು ಮತ್ತು ವಿಷಾದದೊಂದಿಗೇ ಈ ಬಾರಿಯ ರಾಜ್ಯೋತ್ಸವವನ್ನು ಆಚರಿಸಬೇಕಿದೆ.

ರಾಜ್ಯೋತ್ಸವದ ಆಚರಣೆ ಎಂದರೆ ಹುಟ್ಟುಹಬ್ಬದ ಆಚರಣೆಯಂತಲ್ಲ ಎನ್ನುವ ವಾಸ್ತವವನ್ನು ಇನ್ನಾದರೂ ನಾವು ಅರ್ಥಮಾಡಿಕೊಳ್ಳಬೇಕಿದೆ. ತನಗೆ ಅರಿವಿಲ್ಲದೆಯೇ ಜನಿಸುವ ವ್ಯಕ್ತಿಯ ಹುಟ್ಟುಹಬ್ಬದಂತೆ ಒಂದು ಭೌಗೋಳಿಕ ಪ್ರದೇಶದ ಅಸ್ತಿತ್ವವನ್ನು ಆಚರಿಸುವ ಪರಂಪರೆಯಿಂದ ನಾವು ಹೊರಬರಬೇಕಿದೆ. ಇಂದು ಕನ್ನಡ ಒಂದು ಭಾಷೆಯಾಗಿ ತನ್ನ ಅಸ್ತಿತ್ವಕ್ಕಾಗಿ ಹೋರಾಡುತ್ತಿದ್ದರೆ, ಕನ್ನಡವನ್ನು ಉಳಿಸಿ ಬೆಳೆಸಬೇಕಾದ ಕನ್ನಡ ನಾಡು ತನ್ನ ಸಾಂವಿಧಾನಿಕ ಅಸ್ತಿತ್ವಕ್ಕಾಗಿ ಹೋರಾಡಬೇಕಿದೆ. ಭೌಗೋಳಿಕವಾಗಿ, ಭೂಪಟದ ಸುಂದರ ಚಿತ್ತಾರದ ಮೂಲಕ ಕೆಂಪು ಹಳದಿ ಬಣ್ಣಗಳ ರಂಗಿನ ಲೋಕದಲ್ಲಿ ವಿಹರಿಸುವ ಮುನ್ನ ಈ ರಾಜ್ಯದ ಜನತೆಯ ಅಸ್ಮಿತೆ ಮತ್ತು ಅಸ್ತಿತ್ವ ಎದುರಿಸುತ್ತಿರುವ ಅಪಾಯಗಳನ್ನು ಕುರಿತು ಯೋಚಿಸಬೇಕಿದೆ.

“ ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ” ಎನ್ನುವ ಮತ್ತೊಂದು ಕವಿವಾಣಿಯನ್ನು ಒಮ್ಮೆ ನೆನೆಯೋಣ. ಚರಿತ್ರೆಯ ಪುಟಗಳಲ್ಲಿ ಹುದುಗಿ ಭವ್ಯ ಇತಿಹಾಸ ಮತ್ತು ಪರಂಪರೆಯನ್ನು ಸಂಭ್ರಮಿಸುವುದರ ನಡುವೆಯೇ ಕನ್ನಡ ನಮ್ಮ ಉಸಿರಾಗಿದೆಯೇ ಎಂದು ಪ್ರಶ್ನಿಸಿಕೊಳ್ಳಬೇಕಾದ ಸಂದರ್ಭ ಎದುರಾಗಿದೆ.

ಕನ್ನಡ ಒಂದು ಭಾಷೆಯಾಗಿ ಸಮೃದ್ಧವಾಗಿದೆ, ಜನಸಾಮಾನ್ಯರ ಬದುಕಿನಲ್ಲಿ ಒಂದಾಗಿದೆ, ಕೋಟ್ಯಂತರ ಜನತೆಯ ನಿತ್ಯ ಬದುಕಿನ ಒಂದು ಭಾಗವಾಗಿದೆ. ಆದರೆ ಕನ್ನಡ ಉಸಿರಾಗುವುದು ಎಂದರೆ ಇಷ್ಟೇ ಅಲ್ಲ. ಭುವನೇಶ್ವರಿ ಮತ್ತು ಭೂಪಟ, ಇವೆರಡರ ನಡುವೆ ಪಟಪಟಿಸುವ ಕೆಂಪು-ಹಳದಿ ಬಣ್ಣದ ಬಾವುಟ ಕನ್ನಡದ ಉಸಿರನ್ನು ಪ್ರತಿನಿಧಿಸುತ್ತಿದೆಯೇ ? ಈ ಪ್ರಶ್ನೆ ನಮ್ಮನ್ನು ಕಾಡಲೇಬೇಕಿದೆ ಅಲ್ಲವೇ ?

ಈ ಸಂದರ್ಭದಲ್ಲಿ ನಮ್ಮೊಳಗೆ ಮೂಡಬೇಕಾದ ಜಿಜ್ಞಾಸೆ ಎಂದರೆ ನಾವು ಪ್ರತಿವರ್ಷ ಆಚರಿಸುತ್ತಿರುವುದು ಕನ್ನಡ ರಾಜ್ಯೋತ್ಸವವನ್ನೋ ಅಥವಾ ಕರ್ನಾಟಕ ರಾಜ್ಯೋತ್ಸವವನ್ನೋ ? ಏಕೆಂದರೆ ಕನ್ನಡ ಅಮೂರ್ತ ಸ್ವರೂಪದ ಒಂದು ವಿರಾಟ್ ಅಸ್ಮಿತೆಯ ನೆಲೆಗಟ್ಟು. ಕರ್ನಾಟಕ ಮೂರ್ತ ಸ್ವರೂಪದ ಒಂದು ಭೌಗೋಳಿಕ ಚೌಕಟ್ಟು. ಗಡಿ ವಿವಾದಗಳನ್ನು ಹೊರತುಪಡಿಸಿದರೆ ಕರ್ನಾಟಕದ ಸಮಸ್ಯೆಗಳು ನಗಣ್ಯ. ಆದರೆ ಕನ್ನಡ ಸಮಸ್ಯೆಗಳು ಬೆಟ್ಟದಷ್ಟು. ಇಲ್ಲಿ ರಾಜ್ಯದ ಜನಸಾಮಾನ್ಯರನ್ನು ನಾವು “ ಕನ್ನಡದ ” ಭಾಗವಾಗಿ ನೋಡುತ್ತೇವೆಯೋ ಅಥವಾ “ ಕರ್ನಾಟಕದ ” ಭಾಗವಾಗಿ ನೋಡುತ್ತೇವೆಯೋ ?

ಭಾಷೆ ಮುಖ್ಯವಾಗುವುದು ಇಲ್ಲಿಯೇ. ಆಡುಭಾಷೆಯಾಗಿ, ಬಳಕೆಯ ಭಾಷೆಯಾಗಿ, ಸಾಹಿತ್ಯಕ ಅಭಿವ್ಯಕ್ತಿಯಾಗಿ, ಸಾಂಸ್ಕೃತಿಕ ಭೂಮಿಕೆಯಾಗಿ ಕನ್ನಡದ ಅಸ್ಮಿತೆ ತನ್ನ ಛಾಪು ಮತ್ತು ಹೊಳಹನ್ನು ಉಳಿಸಿಕೊಂಡಿದೆ. ಆದರೆ ಬದುಕಿನ ಭಾಷೆಯಾಗಿ, ಜೀವನ ಮತ್ತು ಜೀವನೋಪಾಯದ ನುಡಿಯಾಗಿ, ಅಸ್ತಿತ್ವದ ಭೂಮಿಕೆಯಾಗಿ ಕನ್ನಡದ ಅಸ್ಮಿತೆ ಏನಾಗಿದೆ ? ಮಾತೃಭಾಷಾ ಶಿಕ್ಷಣ, ಶಿಕ್ಷಣ ಮಾಧ್ಯಮವಾಗಿ ಕನ್ನಡ ಮತ್ತು ಕನ್ನಡ ಕಲಿಕೆಯ ಪ್ರಾಧಾನ್ಯತೆ ಈ ನೆಲೆಗಳಲ್ಲಿ ರಾಜ್ಯದ ಭೂಪಟವನ್ನು ಇರಿಸಿದಾಗ ನಮಗೆ ಕನ್ನಡ ತನ್ನ ಇರುವಿಕೆಯನ್ನು ತಾನೇ ಪ್ರಶ್ನಿಸಿಕೊಳ್ಳುತ್ತಿರುವಂತೆ ಕಾಣುತ್ತದೆ.

ಭಾಷೆಯ ಅಳಿವು ಉಳಿವು ಎಷ್ಟು ಗಂಭೀರ ಪ್ರಶ್ನೆಯಾಗಿ ನಮ್ಮ ಮುಂದಿರುವುದೋ, ಅಷ್ಟೇ ಗಂಭೀರವಾಗಿ ಭಾಷಿಕರ ಅಳಿವು ಉಳಿವು ಸಹ ಎದುರಾಗಿದೆ. ಭಾಷಿಕರು ಎಂದರೆ ಕನ್ನಡವನ್ನು ಮಾತೃಭಾಷೆಯನ್ನಾಗಿ ಹೊಂದಿರುವವರು ಮಾತ್ರವೇ? ಕರ್ನಾಟಕದ ಸಂದರ್ಭದಲ್ಲಿ ಹೀಗೆ ಹೇಳಲಾಗುವುದಿಲ್ಲ. ಕೊಂಕಣಿ, ತುಳು, ಹವ್ಯಕ, ಕೊಡವ, ಅರೆಭಾಷೆ ಹೀಗೆ ಕನ್ನಡ ಮತ್ತು ಕರ್ನಾಟಕದ ಚೌಕಟ್ಟಿನಲ್ಲಿ ಹಲವು ಆಯಾಮಗಳನ್ನು ಗುರುತಿಸಬೇಕಾಗುತ್ತದೆ.

ಹಾಗೆಯೇ ಹೊರ ರಾಜ್ಯಗಳಿಂದ ಬಂದು ತಮ್ಮದೇ ಆದ ಮಾತೃಭಾಷೆಯನ್ನೇ ಉಳಿಸಿಕೊಂಡಿದ್ದರೂ , ಕರ್ನಾಟಕ ಎನ್ನುವ ಭೌಗೋಳಿಕ ಅಸ್ತಿತ್ವದ ಉಳಿವಿಗೆ ಶ್ರಮಿಸಿರುವ, ಶ್ರಮಿಸುತ್ತಿರುವ ಜನರೂ ನಮ್ಮ ನಡುವೆ ಇದ್ದಾರೆ. ಈ ಸಮಸ್ತ ಜನತೆಯ ಅಸ್ತಿತ್ವ ಮತ್ತು ಅಸ್ಮಿತೆಯ ಪ್ರಶ್ನೆ ಎದುರಾದಾಗ ಕನ್ನಡ ರಾಷ್ಟ್ರೀಯತೆಯ ಪ್ರಶ್ನೆಯೂ ಎದುರಾಗುತ್ತದೆ.

ಕರ್ನಾಟಕದ ಸಂದರ್ಭದಲ್ಲಿ ಇಂದು ರಾಷ್ಟ್ರೀಯತೆಯ ಪ್ರಶ್ನೆ ಚರ್ಚೆಗೊಳಗಾಗುತ್ತಿಲ್ಲ. ಪ್ರಾದೇಶಿಕ ಅಸ್ಮಿತೆ ಭಾರತದ ರಾಷ್ಟ್ರೀಯತೆಯಲ್ಲಿ ಸಮ್ಮಿಳಿತವಾಗಿ ಮರೆಯಾಗುತ್ತಿದೆ. ಆದರೆ ಈ ರಾಜ್ಯದ ದುಡಿಯುವ ಜನತೆಗೆ, ದುಡಿಮೆಯನ್ನೇ ನಂಬಿ ಬದುಕುವ ಬಹುಸಂಖ್ಯಾತ ಜನತೆಗೆ ರಾಷ್ಟ್ರೀಯತೆ ಒಂದು ಗಂಭೀರ ಪ್ರಶ್ನೆಯಾಗಿ ಕಾಡಲೇಬೇಕಿದೆ.

ನಮ್ಮ ಭೌಗೋಳಿಕ ಅಸ್ಮಿತೆ ಮತ್ತು ಅಸ್ತಿತ್ವ ಎಂದರೆ ಸುಂದರವಾದ ಭೂಪಟವಲ್ಲ. ಈ ರಾಜ್ಯದ ನೈಸರ್ಗಿಕ ಸಂಪತ್ತು ಮತ್ತು ಸಂಪನ್ಮೂಲಗಳು, ಈ ರಾಜ್ಯದ ಶ್ರಮ ಮತ್ತು ಶ್ರಮ ಶಕ್ತಿ, ದುಡಿಮೆಯ ನೆಲೆಗಳು ಮತ್ತು ಉತ್ಪಾದನೆಯ ಮೂಲಗಳು, ಉತ್ಪಾದನೆಯ ಶಕ್ತಿಗಳು ಇವೆಲ್ಲವನ್ನೂ ನವ ಉದಾರವಾದ ಮತ್ತು ಜಾಗತೀಕರಣ ಮುಕ್ತ ಮಾರುಕಟ್ಟೆಯಲ್ಲಿ ಸಮ್ಮಿಳಿತಗೊಳಿಸುವುದರಲ್ಲಿ ಯಶಸ್ವಿಯಾಗಿದೆ.

ಅಂದರೆ ಕನ್ನಡ ಜನತೆಯ ಸವಾಲುಗಳು ಈಗ ಮುಕ್ತವಾಗಿ ಮುನ್ನೆಲೆಗೆ ಬಂದಿದೆ. ನೆಲ, ಜಲ, ಅರಣ್ಯ, ಭೂಗರ್ಭ, ಹಸಿರು ಘಟ್ಟಗಳು ಮತ್ತು ಈ ಎಲ್ಲ ಪ್ರಾಕೃತಿಕ ಸಂಪತ್ತಿನೊಡನೆ ಸಂವಾದಿಸುತ್ತಾ ತಮ್ಮ ಅಸ್ಮಿತೆಯನ್ನು, ಅಸ್ತಿತ್ವವನ್ನು ಕಂಡುಕೊಳ್ಳಲು ದಿನನಿತ್ಯ ಬೆವರು ಸುರಿಸುತ್ತಿರುವ ಕೋಟ್ಯಂತರ ಶ್ರಮಜೀವಿಗಳ ಬದುಕು. ಇದು ಇಂದು ಅಪಾಯ ಎದುರಿಸುತ್ತಿದೆ.

ಒಕ್ಕೂಟ ವ್ಯವಸ್ಥೆಯ ಸಾಂವಿಧಾನಿಕ ಸ್ವರೂಪದಲ್ಲಿ ನಮ್ಮ ಉಸಿರನ್ನು ಕಂಡುಕೊಳ್ಳುತ್ತಾ 70 ವರ್ಷಗಳ ಕಾಲ ನೆಮ್ಮದಿಯಿಂದ ಬದುಕಿದ ಕನ್ನಡ ಮತ್ತು ಕನ್ನಡಿಗರು ಇಂದು ತಮ್ಮ ಸ್ವಂತಿಕೆಯನ್ನು ಕಳೆದುಕೊಂಡು ಸಾಂಸ್ಕೃತಿಕ ರಾಷ್ಟ್ರೀಯತೆ ಮತ್ತು ಭಾರತೀಯ ರಾಷ್ಟ್ರೀಯತೆಯ ಸುಳಿಗೆ ಸಿಲುಕಿರುವುದನ್ನು ಗಂಭೀರವಾಗಿ ಗಮನಿಸಬೇಕಿದೆ. ಇದು ಕೇವಲ ಆಡಳಿತಾತ್ಮಕ ಪ್ರಶ್ನೆಗಳಲ್ಲ ಅಥವಾ ಆಡಳಿತಾರೂಢ ಸರ್ಕಾರಗಳ ನೀತಿಗಳ ಪ್ರಶ್ನೆಯಲ್ಲ ಎನ್ನುವುದನ್ನೂ ಗಮನಿಸಬೇಕಿದೆ.

ಕೇಂದ್ರ ಸರ್ಕಾರ ಜಾರಿಗೊಳಿಸುತ್ತಿರುವ ಕೃಷಿ ಮಸೂದೆ, ಅರಣ್ಯ ಹಕ್ಕು ಕಾಯ್ದೆ, ಭೂ ಸ್ವಾಧೀನ ಕಾಯ್ದೆ, ಹೊಸ ಕಾರ್ಮಿಕ ಕಾನೂನುಗಳು, ಹೊಸ ಶಿಕ್ಷಣ ನೀತಿ ಮತ್ತು ಹಣಕಾಸು ನೀತಿಗಳು ಕನ್ನಡದ, ಕನ್ನಡಿಗರ ಮತ್ತು ಭೌಗೋಳಿಕ ಕರ್ನಾಟಕದ ಅಸ್ತಿತ್ವ ಮತ್ತು ಅಸ್ಮಿತೆ ಎರಡನ್ನೂ ಅಪಾಯದ ಅಂಚಿಗೆ ತಳ್ಳುತ್ತಿರುವುದನ್ನು ಗಂಭೀರವಾಗಿ ಅವಲೋಕನ ಮಾಡಬೇಕಿದೆ. ಬಂಡವಾಳದ ಜಾಗತೀಕರಣ ಮತ್ತು ಬಂಡವಾಳ ವ್ಯವಸ್ಥೆಯ ವಿಸ್ತರಣಾವಾದ ಈ ರಾಜ್ಯದ ಸಕಲ ಸಂಪನ್ಮೂಲಗಳನ್ನೂ ಮಾರುಕಟ್ಟೆಯ ಹರಾಜು ಕಟ್ಟೆಗಳಲ್ಲಿಟ್ಟು ಕಾರ್ಪೋರೇಟ್ ಉದ್ಯಮಿಗಳ ವಶಕ್ಕೆ ಒಪ್ಪಿಸಲು ಮುಂದಾಗಿರುವುದನ್ನು ಈ ಮೇಲಿನ ಮಸೂದೆಗಳಲ್ಲಿ, ಸಾಂವಿಧಾನಿಕ ತಿದ್ದುಪಡಿಗಳಲ್ಲಿ ಕಾಣಬಹುದು.

ಭಾರತದ ಸಂವಿಧಾನ ಭಾಷಾವಾರು ರಾಜ್ಯಗಳಿಗೆ ನೀಡಿರುವ ಮಾನ್ಯತೆಯ ಮೂಲ ಇರುವುದು ಒಕ್ಕೂಟ ವ್ಯವಸ್ಥೆಯ ಪರಿಕಲ್ಪನೆಯಲ್ಲಿ. ಒಕ್ಕೂಟ ವ್ಯವಸ್ಥೆಯಲ್ಲಿ ಪ್ರತಿಯೊಂದು ರಾಜ್ಯಕ್ಕೂ ತನ್ನದೇ ಆದ ಸ್ವಾಯತ್ತ ಸಾಂಸ್ಥಿಕ ಅಸ್ತಿತ್ವ ಮತ್ತು ಅಸ್ಮಿತೆಯನ್ನು ಕಲ್ಪಿಸಬೇಕಾದ್ದು ಕೇಂದ್ರ ಸರ್ಕಾರದ ಅಥವಾ ಪ್ರಭುತ್ವದ ಆದ್ಯತೆಯೂ ಹೌದು ಕರ್ತವ್ಯವೂ ಹೌದು.

ಆದರೆ ಇಂದು ಭಾರತ ಈ ಸಾಂವಿಧಾನಿಕ ಕರ್ತವ್ಯದಿಂದ ವಿಮುಖವಾಗಿದೆ. ಭಾರತದ ರಾಷ್ಟ್ರೀಯತೆ ಎಂದರೆ ಒಕ್ಕೂಟ ವ್ಯವಸ್ಥೆಯೊಳಗಿನ ಪ್ರಾದೇಶಿಕ ಅಸ್ಮಿತೆಗಳನ್ನೊಳಗೊಂಡ ಒಂದು ಪರಿಕಲ್ಪನೆ. ಆದರೆ ಇಂದು ನಾವು ಎದುರಿಸುತ್ತಿರುವ ರಾಷ್ಟ್ರೀಯತೆ ಮೂಲತಃ ಸಾಂಸ್ಕೃತಿಕ ನೆಲೆಯಲ್ಲಿ ಅನಾವರಣಗೊಳ್ಳುತ್ತಿದ್ದು, ಪ್ರಾದೇಶಿಕ ಅಸ್ಮಿತೆಯನ್ನು ನುಂಗಿಹಾಕುವಂತೆ ಕಾಣುತ್ತಿದೆ.

ಒಂದು ದೇಶ, ಒಂದು ಭಾಷೆ, ಒಂದು ಸಂಸ್ಕೃತಿ ಎನ್ನುವ ಘೋಷಣೆಯಲ್ಲೇ ಈ ಅಪಾಯವನ್ನು ನಾವು ಗುರುತಿಸಬಹುದಾಗಿದೆ. ಹಿಂದಿ ಹೇರಿಕೆಯನ್ನು ಜನಸಾಮಾನ್ಯರ ಪ್ರತಿರೋಧದ ಹಿನ್ನೆಲೆಯಲ್ಲಿ ತಡೆಹಿಡಿಯಲಾಗಿದ್ದರೂ ಇದು ದೀರ್ಘಕಾಲಿಕ ದೂರದೃಷ್ಟಿಯ ಯೋಜನೆ ಎನ್ನುವುದನ್ನು ಮರೆಯುವಂತಿಲ್ಲ.

ಕೇಂದ್ರ ಸರ್ಕಾರ ಜಾರಿಗೊಳಿಸುತ್ತಿರುವ ಹೊಸ ಶಿಕ್ಷಣ ನೀತಿ ಇದನ್ನು ಸಾರ್ವತ್ರೀಕರಿಸುವುದಷ್ಟೇ ಅಲ್ಲದೆ ಸಾಂಸ್ಥಿಕವಾಗಿ ಜಾರಿಗೊಳಿಸಿಬಿಡುತ್ತದೆ. ಭಾಷೆಯ ಅಳಿವು ಉಳಿವು ಇಲ್ಲಿ ಪ್ರಶ್ನೆಗೊಳಗಾಗುತ್ತದೆ. ನಾವು ಕನ್ನಡಿಗರು ಎನ್ನುತ್ತಲೋ, ಕನ್ನಡ ನಾಡು ನಮ್ಮದು ಎನ್ನುತ್ತಲೋ ಅಬ್ಬರಿಸುವ ಮುನ್ನ ನಮ್ಮ ಕನ್ನಡದ ನೆಲೆಗಳು ಏನಾಗುತ್ತಿವೆ ಎನ್ನುವುದರ ಪರಿವೆ ನಮಗಿರಬೇಕಲ್ಲವೇ ?

ಕನ್ನಡಿಗರ ಶ್ರಮ, ಪರಿಶ್ರಮದ ಮೂಲಕವೇ ಬೆಳೆದು ನಿಂತ ಸಾಂವಿಧಾನಿಕ ನೆಲೆಗಳು ಇಂದು ಕೇಂದ್ರೀಕೃತ ಆಡಳಿತ ವ್ಯವಸ್ಥೆಯ ಚೌಕಟ್ಟಿನಲ್ಲಿ ನೇಪಥ್ಯಕ್ಕೆ ಸರಿಯುತ್ತಿವೆ. ಇದನ್ನು ನಾವು ಭೌಗೋಳಿಕ ರಾಷ್ಟ್ರೀಯತೆಯ ಉನ್ಮಾದದಲ್ಲಿ ಮರೆಯುತ್ತಿದ್ದೇವೆ. ಮತ್ತೊಂದೆಡೆ ಕನ್ನಡಿಗರೇ ಕಟ್ಟಿ ಬೆಳೆಸಿದ ಸಾಂಸ್ಥಿಕ ನೆಲೆಗಳು ತಮ್ಮ ಅಸ್ತಿತ್ವವನ್ನೇ ಕಳೆದುಕೊಳ್ಳುತ್ತಿವೆ. ಇದನ್ನು ಸಾಂಸ್ಕøತಿಕ ಅಸ್ಮಿತೆಯ ಉನ್ಮಾದದಲ್ಲಿ ನಿರ್ಲಕ್ಷಿಸುತ್ತಿದ್ದೇವೆ. ಕನ್ನಡ ಮತ್ತು ಕನ್ನಡತನ ಉಳಿಯಬೇಕೆಂದರೆ ಕನ್ನಡಿಗರು ಕಟ್ಟಿ ಬೆಳೆಸಿದ ನೆಲೆಗಳೂ ಉಳಿಯಬೇಕಲ್ಲವೇ ? ಒಮ್ಮೆ ಹಿಂದಿರುಗಿ ನೋಡೋಣ.

ಕಳೆದ ಅರು ವರ್ಷಗಳಲ್ಲಿ ನಮ್ಮ ಅಸ್ಮಿತೆಯ ಕುರುಹಾಗಿದ್ದ, ನಮ್ಮ ಶ್ರಮಶಕ್ತಿಯ ಸ್ಥಾವರದಂತಿದ್ದ ಸಾಂಸ್ಥಿಕ ನೆಲೆಗಳು ಸದ್ದಿಲ್ಲದೆ ಮರೆಯಾಗುತ್ತಿಲ್ಲವೇ ? ಮೈಸೂರು ಬ್ಯಾಂಕ್, ಕಾರ್ಪೋರೇಷನ್ ಬ್ಯಾಂಕ್, ಸಿಂಡಿಕೇಟ್ ಬ್ಯಾಂಕ್, ವಿಜಯಾ ಬ್ಯಾಂಕ್ ಈ ಎಲ್ಲವೂ ರಾಷ್ಟ್ರೀಕೃತ ಸಾರ್ವಜನಿಕ ಸಂಸ್ಥೆಗಳಾಗಿದ್ದವು. ಆದರೆ ಈ ಬ್ಯಾಂಕುಗಳ ಅಸ್ಮಿತೆ ಉಳಿದುಕೊಂಡು ಬಂದಿದ್ದುದು ಕನ್ನಡತನದಲ್ಲಿ, ಕನ್ನಡಿಗರ ನೆಲೆಯಲ್ಲಿ, ಕನ್ನಡ ಭಾಷೆಯ ನೆಲೆಯಲ್ಲಿ ಮತ್ತು ಈ ನೆಲದ ಶ್ರಮಿಕರ ಶ್ರಮದಲ್ಲಿ.

ಇಂದು ಈ ಬ್ಯಾಂಕುಗಳು ಇತಿಹಾಸದ ಪುಟಗಳಲ್ಲೂ ಕಾಣದಂತೆ ಮರೆಯಾಗಿಬಿಟ್ಟಿವೆ. ಕೆನರಾ ಮತ್ತು ಕರ್ನಾಟಕ ಬ್ಯಾಂಕ್ ಉಳಿದುಕೊಂಡಿದೆ. ಹೆಚ್ಚು ಕಾಲ ಇರುವುದಿಲ್ಲ ಎನ್ನುವುದನ್ನೂ ಅರ್ಥಮಾಡಿಕೊಳ್ಳಬೇಕಿದೆ. ಆದರೆ ಕನ್ನಡವೇ ನಮ್ಮ ಉಸಿರು ಎಂದು ಕೂಗಿ ಹೇಳುವ ದನಿಗಳಿಗೆ ಇದು ಒಂದು ಗಂಭೀರ ಸಮಸ್ಯೆ ಎನಿಸಲೇ ಇಲ್ಲ.

ಈಗ ನಾವೇ ಕಟ್ಟಿ ಬೆಳೆಸಿದ ಸಾರ್ವಜನಿಕ ಉದ್ದಿಮೆಗಳು ಬಲಿಪೀಠದತ್ತ ಸಾಗುತ್ತವೆ. ಕೋಲಾರ ಚಿನ್ನದ ಗಣಿ ಮುಚ್ಚಿ ಮೂರು-ನಾಲ್ಕು ದಶಕಗಳಾಗಿವೆ, ಪುನರಾರಂಭಿಸುವ ಯೋಜನೆಗಳೂ ಇವೆ. ಆದರೆ ಉಳಿದರೂ ನಮ್ಮ ಕೈಯ್ಯಲ್ಲಿ ಉಳಿಯುವುದಿಲ್ಲ. ಕಾರ್ಪೋರೇಟ್ ವಶವಾಗುತ್ತದೆ. ಬಿಹೆಚ್‍ಇಎಲ್, ಬಿಇಎಲ್, ಹೆಚ್‍ಎಂಟಿ, ಬಿಇಎಂಎಲ್, ಹೆಚ್‍ಎಎಲ್ ಹೀಗೆ ಸ್ವತಂತ್ರ ಭಾರತದ ದೇವಾಲಯಗಳು ಎಂದು ಗುರುತಿಸಲ್ಪಟ್ಟಿದ್ದ ಉದ್ದಿಮೆಗಳು ಕ್ರಮೇಣ ವಿದೇಶಿ/ಸ್ವದೇಶಿ ಕಾರ್ಪೋರೇಟ್ ಉದ್ಯಮಿಗಳ ಪಾಲಾಗುತ್ತದೆ.

ಇಂದಿನ ದುಡಿಯುವ ಕೈಗಳತ್ತ ಒಮ್ಮೆ ನೋಡಿದಾಗ, ಡಿಜಿಟಲೀಕರಣಗೊಂಡ ಔದ್ಯಮಿಕ ಲೋಕದಲ್ಲಿ ಸೇವೆ ಸಲ್ಲಿಸುತ್ತಿರುವ 30-40 ವಯೋಮಾನದ ಶೇ 75ರಷ್ಟು ದುಡಿಮೆಗಾರರು ಈ ಮೇಲೆ ಹೇಳಿದ ಸಾರ್ವಜನಿಕ ಉದ್ದಿಮೆಗಳ, ಬ್ಯಾಂಕುಗಳ ನೆಲೆಯಲ್ಲೇ ಬೆಳೆದುಬಂದಿರುವುದನ್ನು ಅಲ್ಲಗಳೆಯಲಾಗುವುದಿಲ್ಲ. ಕರ್ನಾಟಕದಲ್ಲಿ ಹಿತವಲಯದಲ್ಲಿರುವ ಮಧ್ಯಮ ವರ್ಗಗಳು ಈ ಉದ್ದಿಮೆಗಳಲ್ಲಿ ದುಡಿದ ಜೀವಗಳ ಸಂತತಿ ಎನ್ನುವುದನ್ನು ಗಮನಿಸಬೇಕಿದೆ.

ಆದರೆ ಕನ್ನಡಿಗರೇ ಕಟ್ಟಿ ಬೆಳೆಸಿದ ಈ ಸಾರ್ವಜನಿಕ ಉದ್ದಿಮೆಗಳು ಕ್ರಮೇಣ ಈ ಬ್ಯಾಂಕುಗಳಂತೆಯೇ ತಮ್ಮ ಅಸ್ತಿತ್ವವನ್ನು ಕಳೆದುಕೊಳ್ಳಲಿವೆ. ಇತ್ತ ರೈಲು ಹಳಿಗಳೂ ನಮ್ಮದಾಗುವುದಿಲ್ಲ, ಕೃಷಿ ಭೂಮಿಯೂ ನಮ್ಮದಾಗುವುದಿಲ್ಲ, ಅರಣ್ಯ ಸಂಪತ್ತಿನ ಮೇಲೆಯೂ ನಮ್ಮ ಅಧಿಕಾರ ಇರುವುದಿಲ್ಲ, ಭೂಗರ್ಭದ ಖನಿಜಗಳೂ ನಮ್ಮದು ಎನ್ನಲಾಗುವುದಿಲ್ಲ. ರೈಲ್ವೆ ಮತ್ತು ವಿಮಾನ ನಿಲ್ದಾಣಗಳ ಹೆಸರುಗಳಲ್ಲಿ ಕನ್ನಡದ ಅಸ್ಮಿತೆಯನ್ನು ಕೆಂಪೇಗೌಡರ ಹೆಸರಿನಲ್ಲೋ, ನಾಲ್ವಡಿಯವರ ಹೆಸರಿನಲ್ಲೋ ಕಂಡು ಸಂಭ್ರಮಿಸುತ್ತೇವೆ. ಆದರೆ ಈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳು, ರೈಲ್ವೆ ನಿಲ್ದಾಣಗಳು ಅಂತಾರಾಷ್ಟ್ರೀಯ ಹಣಕಾಸು ಬಂಡವಾಳದ ವಾರಸುದಾರರ ಒಡೆತನಕ್ಕೆ ಒಳಪಡುತ್ತವೆ.

ಇವೆಲ್ಲದಕ್ಕೂ ಮುಕುಟವಿಟ್ಟಂತೆ ಶೈಕ್ಷಣಿಕ ವಲಯದಲ್ಲಿನ ಬೆಳವಣಿಗೆಗಳನ್ನು ನೋಡಿದರೆ ನಮ್ಮ ವಿಶ್ವವಿದ್ಯಾಲಯಗಳೂ ಸಹ ಮತ್ತೊಂದು ವಿಶ್ವದ ಪಾಲಾಗುವ ಕಾಲ ಸನ್ನಿಹಿತವಾಗುತ್ತಿದೆ. ನಮ್ಮ ನಾಡಿನ ಹೆಮ್ಮೆ, ವಿಶ್ವೇಶ್ವರಯ್ಯನವರು, ಮೈಸೂರಿನ ನಾಲ್ವಡಿ ಒಡೆಯರ್ ಸ್ಥಾಪಿಸಿದ ಶೈಕ್ಷಣಿಕ, ಔದ್ಯಮಿಕ ಸಂಸ್ಥೆಗಳ ಪಟ್ಟಿ ವಾಟ್ಸಪ್ ವಿಶ್ವವಿದ್ಯಾಲಯದ ಸಂದೇಶಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಆದರೆ ಈ ಸಂಸ್ಥೆಗಳಲ್ಲಿ ಹಲವು ಮುಚ್ಚಿಹೋಗಿವೆ ಇನ್ನುಳಿದವು ಕಾರ್ಪೋರೇಟ್ ವಲಯದಲ್ಲಿ ಲೀನವಾಗಲಿದೆ. ಜಲಸಂಪನ್ಮೂಲಗಳನ್ನೂ ಖಾಸಗೀಕರಣಕ್ಕೊಳಪಡಿಸುವ ದಿನಗಳು ದೂರವೇನಿಲ್ಲ. ಕೃಷ್ಣರಾಜಸಾಗರ, ಕಬಿನಿ ಜಲಾಶಯ ಸಹ ಒಬ್ಬ ಉದ್ಯಮಿಯ ಸೊತ್ತಾಗುತ್ತದೆ.

ಈ ಎಲ್ಲ ಬೆಳವಣಿಗೆಗಳನ್ನೂ ನಾವು ದೇಶದ ಅಭಿವೃದ್ಧಿ ಮತ್ತು ಪ್ರಗತಿಯ ಅನಿವಾರ್ಯತೆಗಳು ಎಂದು ಭಾವಿಸಿ, ಹಿತವಲಯಗಳಲ್ಲಿ ವಿಶ್ರಮಿಸುತ್ತಿದ್ದೇವೆ. 50 ವರ್ಷಗಳ ಕಾಲ ಒಂದು ಪೀಳಿಗೆ ಕಟ್ಟಿ ಬೆಳೆಸಿದ ಸಂಸ್ಥೆಗಳು ಅದೇ ಪೀಳಿಗೆಯ ಸಂತತಿಯ ಪಾಲಿಗೆ ಬಿಕರಿಯಾಗಬಹುದಾದ ಮಾರುಕಟ್ಟೆ ಸರಕುಗಳಂತೆ ಕಾಣುತ್ತಿದೆ.

ನಮ್ಮ ಮುಂದಿನ ಪೀಳಿಗೆಗೆ ಇದಾವುದೂ ಉಳಿಯುವುದಿಲ್ಲ ಎಂಬ ಸೂಕ್ಷ್ಮ ಪರಿಜ್ಞಾನವೂ ಇಲ್ಲದಂತೆ ನವ ಉದಾರವಾದ ಮತ್ತು ಬಲಪಂಥೀಯ ರಾಜಕಾರಣ ಉನ್ಮಾದ ಸೃಷ್ಟಿಸಿದೆ. ಮೀಸಲಾತಿಯ ಔಚಿತ್ಯವನ್ನು ಪ್ರಶ್ನಿಸುವ ಮನಸುಗಳು ಬಲವಾಗುತ್ತಿರುವಂತೆಯೇ ಮೀಸಲಾತಿಯ ನೆಲೆಗಳೂ ಕ್ರಮೇಣ ಧ್ವಂಸವಾಗುತ್ತಿರುವುದನ್ನು ಗಮನಿಸುತ್ತಿದ್ದೇವೆ ಆದರೆ ನಮ್ಮಲ್ಲಿ ಇದು ಆತಂಕ ಸೃಷ್ಟಿಸುತ್ತಿಲ್ಲ.

ಇದನ್ನು ನಿಷ್ಕ್ರಿಯತೆ ಎನ್ನೋಣವೋ, ನಿರ್ಲಿಪ್ತತೆ ಎನ್ನೋಣವೋ ? ಇಂದು, 31 ಅಕ್ಟೋಬರ್ ಬಾರತದ ಮೊಟ್ಟಮೊದಲ ಕಾರ್ಮಿಕ ಸಂಘಟನೆ ಎಐಟಿಯುಸಿ ತನ್ನ ನೂರನೆಯ ವರ್ಷವನ್ನು ಆಚರಿಸುತ್ತಿದೆ. ಈ ಸಂಘಟನೆಯ ಮತ್ತು ಇದರಿಂದಲೇ ಚದುರಿಹೋದ ಹತ್ತಾರು ಸಂಘಟನೆಗಳ ಹೋರಾಟಗಳಲ್ಲಿ ಕೆಂಬಾವುಟದ ಆಶ್ರಯದಲ್ಲಿ ತಮ್ಮ ಬದುಕು ರೂಪಿಸಿಕೊಂಡು ಇಂದು ಸುಸ್ಥಿರವಾದ ಹಿತವಲಯಗಳಲ್ಲಿ ವಿರಮಿಸಿರುವ ಒಂದು ವರ್ಗ ತನ್ನ ಅಸ್ತಿತ್ವದ ನೆಲೆ ಈ ಹೋರಾಟಗಳಲ್ಲಿದೆ ಎನ್ನುವುದನ್ನೂ ಮರೆತು “ ಅಭಿವೃದ್ಧಿ ಪಥ ”ದತ್ತ ನೋಡುತ್ತಿದೆ. ಈ ಅಭಿವೃದ್ಧಿ ಪಥದ ಹಾಸುಗಲ್ಲುಗಳ ನಡುವೆ ನಮ್ಮ, ಅಂದರೆ ಕನ್ನಡಿಗರ ಅಸ್ತಿತ್ವ, ಅಸ್ಥಿಯಂತೆ ಹೂತುಹೋಗುತ್ತಿರುವುದನ್ನು, ಕನ್ನಡದ ಮನಸುಗಳು ಗ್ರಹಿಸುತ್ತಲೇ ಇಲ್ಲ ಎಂದು ವಿಷಾದದಿಂದ ಹೇಳಬೇಕಿದೆ.

“ ಕನ್ನಡ ಮತ್ತು ಕನ್ನಡಿಗರು ” , “ ಕನ್ನಡತನ ಮತ್ತು ಕರ್ನಾಟಕ ” ಈ ಪದಪುಂಜಗಳ ಹಿಂದೆ ಒಂದು ಭೌಗೋಳಿಕ, ಸಾಂಸ್ಕೃತಿಕ, ಭಾಷಿಕ, ಪ್ರಾದೇಶಿಕ ಮತ್ತು ಭಾವುಕತೆಯ ಅಸ್ಮಿತೆಗಳಿದ್ದರೆ ಅದು ಈ ನಾಡಿನ ಸಮಸ್ತ ಜನತೆಯ ಅಸ್ತಿತ್ವಕ್ಕೆ ಸಂಬಂಧಿಸುವಂತಿರಬೇಕು. ಈ ನಿಟ್ಟಿನಲ್ಲಿ ಆಲೋಚನೆ ಮಾಡುವ ಕನ್ನಡ ಸಂಘಟನೆಗಳು ಎಷ್ಟಿವೆ ಎಂದು ಆತ್ಮಾವಲೋಕನ ಮಾಡಿಕೊಳ್ಳುವ ಸಂದಿಗ್ಧತೆಯಲ್ಲಿ ನಾವಿದ್ದೇವೆ. ಈ ಸಂದಿಗ್ಧತೆಯ ನಡುವೆಯೇ ಮತ್ತೊಂದು ಕನ್ನಡ ಮತ್ತು ಕರ್ನಾಟಕ ರಾಜ್ಯೋತ್ಸವವನ್ನು ಆಚರಿಸುತ್ತಿದ್ದೇವೆ. ನಿಂತ ಭೂಮಿಯೇ ಕುಸಿಯುತ್ತಿದ್ದರೂ ಭೂಪಟದಲ್ಲಿ ನಮ್ಮ ಅಸ್ತಿತ್ವ ಮತ್ತು ಅಸ್ಮಿತೆಯನ್ನು ಕೆಂಪು ಹಳದಿ ಬಣ್ಣದ ನಡುವೆ ಕಾಣುತ್ತಾ ಸಂಭ್ರಮಿಸುತ್ತಿದ್ದೇವೆ.

ನಮ್ಮ ಆಲೋಚನಾ ಲಹರಿ ಮತ್ತು ಹೋರಾಟದ ಹಾದಿ ಎರಡೂ ಬದಲಾಗಬೇಕಿದೆ. “ಬೆವರು ನಮ್ಮದು, ದುಡಿಮೆ ನಮ್ಮದು, ಶ್ರಮ ನಮ್ಮದು ಒಡೆತನ ಮತ್ತಾರದೋ ” ಎನ್ನುವ ಸಾಲುಗಳು ಇಂದು ಹೆಚ್ಚು ಪ್ರಸ್ತುತ ಎನಿಸಬೇಕಲ್ಲವೇ ? ಈ ಭಾವನೆ ಮತ್ತು ಗ್ರಹಿಕೆ ನಾವು ಕಾಣುತ್ತಿರುವ ಅಭಿವೃದ್ಧಿ ಅಥವಾ ಪ್ರಗತಿಯ ಪಥದಲ್ಲಿ ಅನಿವಾರ್ಯವಾಗಿ ಮೂಡಲೇ ಬೇಕು ಎನ್ನುವ ಸೂಕ್ಷ್ಮವನ್ನು ಇನ್ನಾದರೂ ಗ್ರಹಿಸಬೇಕಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ

Published

on

ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.

ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)

AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.

ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್‌ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.

ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.

ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್‌ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್‌ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.

ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್‌ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.

ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ

Published

on

ಸುದ್ದಿದಿನ,ದಾವಣಗೆರೆ:ಮಾರ್ಚ್ 18 ರಿಂದ ಪ್ರಾರಂಭವಾಗುವ ಎಸ್.ಎಸ್.ಎಲ್.ಸಿ ಫಲಿತಾಂಶವನ್ನು ಹೆಚ್ಚಿಸಲು ಶಿಕ್ಷಕರು ಮತ್ತು ಮುಖ್ಯೋಪಾಧ್ಯಾಯರು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು.

ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ತುಂಗಭದ್ರಾ ಸಭಾಂಗಣದಲ್ಲಿ ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆ ಮತ್ತು ಶೈಕ್ಷಣಿಕ ಕಾರ್ಯಾಗಾರದಲ್ಲಿ ಜಿಲ್ಲಾ ಪ್ರೌಢಶಾಲೆಯ ಮುಖ್ಯ ಶಿಕ್ಷಕರು ಮತ್ತು ಉಪ ಪ್ರಾಂಶುಪಾಲರನ್ನು ಉದ್ದೇಶಿಸಿ ಮಾತನಾಡಿದರು.

ಪ್ರಸ್ತುತ ಎಸ್.ಎಸ್.ಎಲ್.ಸಿ ಎರಡು ಪೂರ್ವಭಾವಿ ಪರೀಕ್ಷೆಗಳು ನಡೆದಿದ್ದು ಶೇ. 18 ಕ್ಕಿಂತ ಕಡಿಮೆ ಫಲಿತಾಂಶ ಪಡೆದ ಶಾಲೆಗಳಿಗೆ ನೋಟಿಸ್ ನೀಡಿ ವಿವರಣೆಯನ್ನು ಪಡೆಯಬೇಕು, ಎಸ್.ಎಸ್.ಎಲ್.ಸಿ ಗೆ ಪ್ರವೇಶ ಪಡೆದು ಪರೀಕ್ಷೆಗೆ ಗೈರಾಗಿರುವ ಮಕ್ಕಳ ಬಗ್ಗೆ ಮಾಹಿತಿಯನ್ನು ಕಲೆಹಾಕಿ ಮನೆಮನೆ ಭೇಟಿ, ಅವರನ್ನು ಮತ್ತೇ ಶಾಲೆಗೆ ಕರೆತರಲು ಕ್ರಮವಹಿಸಬೇಕು ಎಂದು ತಿಳಿಸಿದರು.

ಡಿಡಿಪಿಐ ಕೊಟ್ರೇಶ್ ಅವರು ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 21,863 ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪ್ರವೇಶ ಪಡೆದಿದ್ದಾರೆ, ವಿವಿಧ ಕಾರಣಗಳಿಂದ 378 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿಲ್ಲ. ಅಂತಿಮವಾಗಿ 21,400 ವಿದ್ಯಾರ್ಥಿಗಳು ಪರೀಕ್ಷೆಗೆ ದಾಖಲಾಗಿದ್ದಾರೆ. ಮೊದಲ ಪೂರ್ವಸಿದ್ಧತಾ ಪರೀಕ್ಷೆಗೆ 20,129 ವಿದ್ಯಾರ್ಥಿಗಳು ಹಾಜರಾಗಿದ್ದು, 1,353 ವಿದ್ಯಾರ್ಥಿಗಳು ಗೈರುಹಾಜರಾಗಿದ್ದರು.

ಕಡಿಮೆ ಹಾಜರಾತಿ (75% ಕ್ಕಿಂತ ಕಡಿಮೆ) ಮತ್ತು ಪರೀಕ್ಷೆಯ ಬಗ್ಗೆ ಆಸಕ್ತಿ ಇಲ್ಲದಿರುವುದು ಗೈರುಹಾಜರಿಗೆ ಮುಖ್ಯ ಕಾರಣಗಳಾಗಿವೆ. ಮೊದಲ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಜಿಲ್ಲೆಯ ಒಟ್ಟು ಫಲಿತಾಂಶ 49% ಬಂದಿದೆ. ಎರಡನೇ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಫಲಿತಾಂಶ 68% ಕ್ಕೆ ಏರಿಕೆಯಾಗಿದೆ, ಆದರೆ 1,460 ವಿದ್ಯಾರ್ಥಿಗಳು ಗೈರುಹಾಜರಾಗಿದ್ದರು. ಗೈರುಹಾಜರಾದ ವಿದ್ಯಾರ್ಥಿಗಳ ಮನೆಗೆ ಭೇಟಿ ನೀಡಿ, ಪೋಷಕರ ಮನವೊಲಿಸಿ ಅವರನ್ನು ಶಾಲೆಗೆ ಕರೆತರುವಂತೆ ಕ್ರಮವಹಿಸಲಾಗಿದೆ, ವಿದ್ಯಾರ್ಥಿಗಳ ಸಂದೇಹಗಳನ್ನು ಪರಿಹರಿಸುವುದು ಮತ್ತು ಪರೀಕ್ಷಾ ವಿಧಾನಗಳ ಬಗ್ಗೆ ತಿಳಿಸಿಕೊಡುವುದು.

ಮಂಡಳಿಯಿAದ ನೀಡಲಾದ 4 ಮಾದರಿ ಪ್ರಶ್ನೆ ಪತ್ರಿಕೆಗಳು ಮತ್ತು 2 ಪೂರ್ವಸಿದ್ಧತಾ ಪರೀಕ್ಷಾ ಪತ್ರಿಕೆಗಳು ಸೇರಿದಂತೆ ಒಟ್ಟು 6 ಪ್ರಶ್ನೆ ಪತ್ರಿಕೆಗಳನ್ನು ಪದೇ ಪದೇ ಬಿಡಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬುವುದು. ಅನುತ್ತೀರ್ಣರಾಗುವ ಸಾಧ್ಯತೆ ಇರುವ ಸುಮಾರು 1,400 ವಿದ್ಯಾರ್ಥಿಗಳ ಮೇಲೆ ಹೆಚ್ಚಿನ ಗಮನ ಹರಿಸಿ ಅವರು ತೇರ್ಗಡೆಯಾಗುವಂತೆ ನೋಡಿಕೊಳ್ಳಲು ಕ್ರಮವಹಿಸಲಾಗಿದೆ ಎಂದು ಸಭೆಗೆ ತಿಳಿಸಿದರು.

ಶಿಕ್ಷಕರು ಅತಿ ಮುಖ್ಯವಾಗಿ ಗೈರುಹಾಜರಾಗಿರೋ ಮಕ್ಕಳನ್ನ ಶಾಲೆಗೆ ಕರೆತರಬೇಕು, ಮನೆ ಮನೆ ಭೇಟಿ ಮಾಡಿ ಪಾಲಕ ಪೋಷಕರಿಗೆ ಮನವೊಲಿಸಿ, ಶಿಕ್ಷಣ ಇಲಾಖೆ ನೀಡಿರುವ ಬ್ಲೂಪ್ರಿಂಟ್ ಪ್ರಕಾರ ಮಕ್ಕಳನ್ನು ಸಿದ್ದಗೊಳಿಸಿ, ಪ್ರಶ್ನೆ ಪತ್ರಿಕೆಗಳನ್ನ ಪದೇ ಪದೇ ಬಿಡಿಸೋದರ ಮೂಲಕ ಮಕ್ಕಳಲ್ಲಿ ಒಂದು ಆತ್ಮವಿಶ್ವಾಸ ತುಂಬಬೇಕು , ಗೈರಾಗಿರುವ ವಿದ್ಯಾರ್ಥಿಗಳ ಸಂಖ್ಯೆ 1,400 ಇದೆ, ಆ ವಿದ್ಯಾರ್ಥಿಗಳು ಉತ್ತೀರ್ಣರಾದರೆ ಒಂದು ಉತ್ತಮ ಫಲಿತಾಂಶವನ್ನ ನಿರೀಕ್ಷೆ ಮಾಡಬಹುದು, ಮಕ್ಕಳಿಗೆ ಪಾಠದ ಜೊತೆಗೆ ಆಟಕ್ಕೂ ಅವಕಾಶ ನೀಡಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಸಭೆಯಲ್ಲಿ ಸಿಇಒ ಗಿತ್ತೇ ಮಾಧವ ವಿಠಲ್ ರಾವ್, ಡಯಟ್ ಪ್ರಾಂಶುಪಾಲರಾದ ಗೀತಾ, ಜಿಲ್ಲೆಯ ಎಲ್ಲಾ ಕ್ಷೇತ್ರಶಿಕ್ಷಣಾಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಫೆ.14 ರಂದು ಸಂತ ಸೇವಾಲಾಲ್‌ರವರ 287ನೇ ಜಯಂತಿ ಕಾರ್ಯಕ್ರಮ

Published

on

ಸುದ್ದಿದಿನ,ದಾವಣಗೆರೆ:ಸಂತ ಸೇವಾಲಾಲ್‌ರವರ 287ನೇ ಜಯಂತ್ಸೋವ ಕಾರ್ಯಕ್ರಮವು ಫೆ. 14 ರಂದು ಮಧ್ಯಾಹ್ನ 2 ಗಂಟೆಗೆ ನ್ಯಾಮತಿ ತಾಲ್ಲೂಕಿನ ಭಾಯಾಗಡ್-ಸೂರಗೊಂಡನಕೊಪ್ಪದಲ್ಲಿ ನಡೆಯಲಿದೆ.

ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ತಾಂಡಾ ಅಭಿವೃದ್ದಿ ನಿಗಮ ನಿಯಮಿತ, ಸಂತ ಸೇವಾಲಾಲ್ ಕ್ಷೇತ್ರ ಅಭಿವೃದ್ದಿ ಮತ್ತು ನಿರ್ವಾಹಣಾ ಪ್ರತಿಷ್ಠಾನ ಹಾಗೂ ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ(ರಿ) ಭಾಯ್‌ಗಡ್, ಸೂರಗೊಂಡನಕೊಪ್ಪ ಇವರ ಸಹಯೋಗದಲ್ಲಿ ಜರುಗಲಿರುವ ಕಾರ್ಯಕ್ರಮವನ್ನು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಉದ್ಘಾಟಿಸುವರು.ಹೊನ್ನಾಳಿ ಕ್ಷೇತ್ರದ ಶಾಸಕರಾದ ಡಿ.ಜಿ.ಶಾಂತನಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.

ಗಣಿ ಮತ್ತು ಭೂವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಸಂತಸೇವಾಲಾಲ್‌ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು. ಸಮಾಜ ಕಲ್ಯಾಣ ಸಚಿವರಾದ ಡಾ.ಹೆಚ್.ಸಿ.ಮಹಾದೇವಪ್ಪ ಇವರು ವಲಸೆ ಮಕ್ಕಳ ವಸತಿ ಶಾಲೆಯ ಶಂಕುಸ್ಥಾಪನೆಯನ್ನು ಉದ್ಘಾಟಿಸುವರು.

ಕೇಂದ್ರ ಬೃಹತ್ ಕೈಗಾರಿಕಾ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ, ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವರಾದ ವಿ.ಸೋಮಣ್ಣ ಘನ ಉಪಸ್ಥಿತರಾಗಿರುವರು.

ಮುಖ್ಯ ಅತಿಥಿಗಳಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವರಾದ ಹೆಚ್.ಕೆ.ಪಾಟೀಲ್, ಗೃಹಮಂತ್ರಿಗಳಾದ ಡಾ.ಜಿ.ಪರಮೇಶ್ವರ, ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ, ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಮಧು ಬಂಗಾರಪ್ಪ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ, ವಿರೋಧಪಕ್ಷದ ನಾಯಕರಾದ ಆರ್.ಅಶೋಕ, ಮತ್ತು ಛಲವಾದಿ ನಾರಾಯಣಸ್ವಾಮಿ, ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ವೆಂಕಟೇಶ್ ನಾಯ್ಕ.ಟಿ, ವಿಧಾನಸಭೆಯ ಉಪಸಭಾಪತಿ ಹಾಗೂ ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿಯ ಅಧ್ಯಕ್ಷರಾದ ರುದ್ರಪ್ಪ ಮಾನಪ್ಪ ಲಮಾಣಿ, ಮಹಾರಾಷ್ಟ್ರ ಸರ್ಕಾರದ ಮಣ್ಣು ಮತ್ತು ಜಲ ಸಂರಕ್ಷಣಾ ಸಚಿವರಾದ ಸಂಜಯ್ ಡಿ.ರಾಥೋಡ್, ಮಹಾರಾಷ್ಟ್ರ ಸರ್ಕಾರದ ಪ್ರವಾಸೋದ್ಯಮ, ಲೋಕೋಪಯೋಗಿ, ಕೈಗಾರಿಕೆ ಉನ್ನತ ಹಾಗೂ ತಾಂತ್ರಿಕ ಶಿಕ್ಷಣ ಸಚಿವರಾದ ಇಂದ್ರನಿಲ್ ಮನೋಹರ್ ನಾಯ್ಕ್, ತೆಲಂಗಾಣ ರಾಜ್ಯದ ಮಹಬೂಬಬಾದ್ ಕ್ಷೇತ್ರದ ಸಂಸದರಾದ ಬಲರಾಮ ನಾಯ್ಕ, ಭಾಗವಹಿಸುವರು.

ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್, ಶಾಸಕರುಗಳಾದ ಕೆ.ಎಸ್.ಬಸವಂತಪ್ಪ, ಬಿ.ದೇವೇಂದ್ರಪ್ಪ, ಬಸವರಾಜು ವಿ.ಶಿವಗಂಗಾ, ಬಿ.ಪಿ ಹರೀಶ್, ಜೆ.ಡಿ.ಎಸ್ ಶಾಸಕಾಂಗ ಪಕ್ಷದ ಉಪನಾಯಕರು ಹಾಗೂ ಶಾಸಕರಾದ ಶಾರದಾ ಪೂರ್ಯಾನಾಯ್ಕ, ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಜಿ.ಹೆಚ್ ಮರಿಯೋಜಿರಾವ್, ಕರ್ನಾಟಕ ಜೀವ ವೈವಿಧ್ಯ ಮಂಡಳಿಯ ಅಧ್ಯಕ್ಷರಾದ ವಡ್ನಾಳ್ ಜಗದೀಶ್, ಬಯಲುಸೀಮೆ ಪ್ರದ್ರೇಶಾಭಿವೃದ್ದಿ ಮಂಡಳಿಯ ಹೆಚ್.ಬಿ.ಮಂಜಪ್ಪ, ಬ್ರಾಹ್ಮಣ ಅಭಿವೃದ್ದಿ ನಿಗಮದ ಅಧ್ಯಕ್ಷ ಅಸಗೋಡು ಜಯಸಿಂಹ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎನ್. ಜಯದೇವನಾಯ್ಕ್, ವಿಧಾನ ಪರಿಷತ್ ಸದಸ್ಯರುಗಳಾದ ಎಸ್.ಎಲ್.ಭೋಜೇಗೌಡ, ಡಿ.ಎಸ್.ಅರುಣ್, ಕೆ.ಅಬ್ದುಲ್ ಜಬ್ಬಾರ್, ಡಿ.ಟಿ.ಶ್ರೀನಿವಾಸ್, ಚಿದಾನಂದ ಎಂ.ಗೌಡ, ಕೆ.ಎಸ್.ನವೀನ್, ಡಾ.ಧನಂಜಯ್ ಸರ್ಜಿ, ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಕಾಂತಾನಾಯಕ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಶಾಮನೂರು.ಟಿ.ಬಸವರಾಜ್,ಲೋಕಸೇವಾ ಆಯೋಗದ ಸದಸ್ಯರಾದ ಭೋಜ್ಯಾನಾಯ್ಕ, ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರ ಕೃಷ್ಣಾ ಮೇಲ್ದಂಡೆ ಯೋಜನೆಯ ಅಧ್ಯಕ್ಷರಾದ ಬಾಬು ಹೊನ್ನನಾಯಕ್, ಬಂಜಾರ ಸಂಸ್ಕೃತಿ ಹಾಗೂ ಭಾಷಾ ಅಕಾಡೆಮಿಯ ಅಧ್ಯಕ್ಷರಾದ ಡಾ. ಮೋತಿಲಾಲ್ ಚವ್ಹಾಣ್, ವಿಧಾನಸಭಾ ಕ್ಷೇತ್ರದ ಶಾಸಕರಾದ ಪ್ರಭು ಬಿ ಚವ್ಹಾಣ್, ಡಾ.ಅವಿನಾಶ್ ಜಾಧವ್, ನೇಮಿರಾಜ್ ನಾಯ್ಕ್, ಕೃಷ್ಣನಾಯ್ಕ, ಡಾ.ಚಂದ್ರ ಲಮಾಣಿ, ಭಾಯ್‌ಗಡ್ ಉನ್ನತಮಟ್ಟದ ಸಲಹಾ ಸಮಿತಿಯ ಅಧ್ಯಕ್ಷರು ಹಾಗೂ ಮಾಜಿ ಸಚಿವರಾದ ಪಿ.ಟಿ ಪರಮೇಶ್ವರ್‌ನಾಯ್ಕ್.

ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ರಂದೀಪ್.ಡಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ದಿ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಶಮ್ಲಾ ಇಕ್ಬಾಲ್, ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರಾದ ಡಾ.ರಾಕೇಶ್ ಕುಮಾರ್.ಕೆ, ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ, ಜಿ.ಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠ್ಠಲ್ ರಾವ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೇಖರ್.ಹೆಚ್ ತೆಕ್ಕಣ್ಣನವರ್, ಸಮಾಜ ಕಲ್ಯಾಣ ಇಲಾಖೆಯ ನೋಡೆಲ್ ಎಜೆನ್ಸಿ ಸಲಹೆಗಾರರಾದ ಡಾ.ಇ ವೆಂಕಯ್ಯ, ಕ.ತಾ.ಅ.ನಿ.ನಿ ವ್ಯವಸ್ಥಾಪಕ ನಿರ್ದೇಶಕರಾದ ಎನ್.ರಾಜು, ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ(ರಿ) ಪ್ರಧಾನ ಧರ್ಮದರ್ಶಿ ಬಿ. ಹೀರಾನಾಯ್ಕ, ಮಹಾಮಠ ನಿರ್ವಹಣಾ ಸಮಿತಿಯ ಅಧ್ಯಕ್ಷರಾದ ಹನುಮಂತನಾಯ್ಕ, ಸಮಿತಿಯ ಪ್ರಧಾನ ಕಾರ್ಯದರ್ಶಿ ಎನ್.ಅರುಣ್ ಕುಮಾರ್ ಭಾಗವಹಿಸಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending