Connect with us

ನೆಲದನಿ

ಕರ್ನಾಟಕವೆಂದರೆ ಕರುಣೆಯಿಲ್ಲವೇ..? ಕನ್ನಡವೆಂದರೆ ಹೆಮ್ಮೆಯಲ್ಲವೇ..?

Published

on

 

ಉದಯವಾಗಲಿ ಚಲುವ ಕನ್ನಡನಾಡು
ಬದುಕು ಬಲಹೀನ ನಿಧಿಯು ಸದಭಿಮಾನದ ಗೂಡು”

ಅಂದು 1924 ನೇ ಇಸವಿ ಬೆಳಗಾವಿಯಲ್ಲಿ ಗಾಂಧೀಜಿಯವರು ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದಲ್ಲಿ ಸಂಗೀತ ವಿದೂಷಿ ಗಂಗೂಬಾಯಿ ಹಾನಗಲ್ ರವರು ಬಾಲಕಿಯಾಗಿದ್ದಾಗ ಹಾಡಿದಂಥ ಹಾಡಿದು. ಇದನ್ನು ಹುಯಿಲಗೋಳ ನಾರಾಯಣರಾಯರು ಬರೆದಂಥ ರಾಷ್ಟ್ರಗೀತೆ. ಹೌದು ಅಂದಿನ ಕಾಲಕ್ಕೆ ಇದು ಕನ್ನಡ ಭಾಷೆಗೆ ರಾಷ್ಟ್ರಗೀತೆಯೇ ಸರಿ. ಮೊದಲಿನಿಂದಲೂ ಭಾಷಾತೀತ ರಾಷ್ಟವಾಗಿರುವ ಭಾರತದಲ್ಲಿ ಎರಡು ಸಾವಿರ ವರ್ಷಗಳ ಇತಿಹಾಸವಿರುವ ಕನ್ನಡವೂ ದ್ರಾವಿಡಭಾಷೆಗಳಲ್ಲಿ ಒಂದು. ಇಂಥಾ ಭಾಷಾಪ್ರೇಮ ಹೊತ್ತ ಹುಯಿಲಗೋಳ ನಾರಾಯಣರಾಯರು ಕನ್ನಡಕ್ಕಾಗಿಯೇ ಬರೆದಂಥ ಅದ್ಭುತ ಅರ್ಥಗಳುಳ್ಳ ಸಾಲಿನ ಪದಗಳು. ಸ್ವತಂತ್ರ ಪೂರ್ವದಲ್ಲೇ ಭಾಷಾಭಿಮಾನದಿಂದ ಒಗ್ಗೂಡುವ ಪ್ರಯತ್ನಕ್ಕೆ ನಾಂದಿಯಾಯಿತೇನೋ ಇವರ ಬರಹದ ಹಾಡು. ಹುಯಿಲಗೋಳ ನಾರಾಯಣರಾಯರು ಕನ್ನಡಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟವರು.

ಏಕೀಕರಣಗೊಂಡ ಕರ್ನಾಟಕ 60 ವಸಂತಗಳನ್ನ ಪೂರೈಸಿ ವಜ್ರಮಹೋತ್ಸವವನ್ನೂ ಆಚರಿಸಿಕೊಂಡಿದೆ. ಕನ್ನಡ ಭಾಷಿಕರು ವಾಸಿಸುವ ಬಹುತೇಕ ಪ್ರದೇಶಗಳೆಲ್ಲಾ ಪ್ರಥಮವಾಗಿ ಒಂದಾದ ಈ ಉತ್ಸವಕ್ಕೆ ಏನಿಲ್ಲವೆಂದರೂ ಒಂದೂವರೆ ಶತಮಾನದ ಹಿನ್ನೆಲೆ ಇದೆ. ಹಿಂದೆ ಒಂದು ಭೂಭಾಗಕ್ಕೆ ಕರ್ನಾಟಕವೆಂಬ ಹೆಸರು ಇರಲಿಲ್ಲ. ಕನ್ನಡ ಭಾಷೆ ಮಾತನಾಡುವ ಸ್ಥಳಗಳಲ್ಲಿ ಕನ್ನಡಿಗರೆ ಆಳ್ವಿಕೆ ನಡೆಸಿದರು. ಕದಂಬರು ಕನ್ನಡ ಮಾತೃಭಾಷೆಯ ರಾಜಮನೆತನಗಳಲ್ಲಿ ಮೊದಲಿಗರು. ಇವರ ಬಳಿಕ ಹಲವಾರು ರಾಜವಂಶಗಳು ನೂರಾರು ವರ್ಷಗಳ ಕಾಲ ವಿವಿಧ ಭಾಗಗಳಲ್ಲಿ ಆಡಳಿತ ನಡೆಸಿದರು. ಕನ್ನಡ ಭಾಷೆಗೆ ಆಗ ಮಾನ್ಯತೆ ಇತ್ತು.

ಬ್ರಿಟಿಷರು ಭಾರತಕ್ಕೆ ಬಂದು ಭಾರತವನ್ನೇ ತಮ್ಮ ಅಂಕೆಗೆ ತೆಗೆದುಕೊಳ್ಳಲು ಆರಂಭಿಸಿದರು. ಅನೇಕ ದೌರ್ಬಲ್ಯಗಳಿಂದ ನಮ್ಮ ನೂರೆಂಟು ಸಂಸ್ಥಾನಗಳು ಅವರ ವಶಕ್ಕೆ ಹೋದವು. ಬೆರಳೆನಿಕೆಯಷ್ಟು ರಾಜರು ಮಾತ್ರ ಬಿಳಿಯರ ವಿರುದ್ಧ ಸೆಟೆದು ನಿಂತರು. ಅಂಥವರಲ್ಲಿ ಮೈಸೂರು ಸಂಸ್ಥಾನದ ಟಿಪ್ಪು ಸುಲ್ತಾನ್ ಕೂಡ ಒಬ್ಬರು. ಕೊನೆಯ ಮೈಸೂರು ಯುದ್ಧದಲ್ಲಿ ಟಿಪ್ಪು ಸುಲ್ತಾನ್ ಪತನಗೊಂಡಿದ್ದು 1799ರಲ್ಲಿ. ಆ ಹೊತ್ತಿಗಾಗಲೇ ದೇಶದೆಲ್ಲೆಡೆ ಬ್ರಿಟಿಷರ ಆಡಳಿತ ಶುರುವಾಗಿತ್ತು. ಗೆದ್ದ ಪ್ರಾಂತ್ಯಗಳನ್ನೆಲ್ಲಾ ಅವರಿಷ್ಟಕ್ಕೆ ಬಂದಂತೆ ಹಂಚಿಕೆ ಮಾಡಲು ಆರಂಭಿಸಿದರು. ಇಂಥಹ ವಿಭಜನೆ ಒಳಪಟ್ಟವರಲ್ಲಿ ಕನ್ನಡಿಗರೂ ಸೇರಿದ್ದರು. ಕನ್ನಡ ಮಾತನಾಡುವ ಪ್ರದೇಶಗಳನ್ನು ಸುಮಾರು 20 ಕ್ಕೂ ಹೆಚ್ಚು ಭಾಗಗಳಾಗಿ ವಿಂಗಡಿಸಿದರು. ಕೆಲವು ಪ್ರದೇಶಗಳನ್ನು ತಾವೇ ಇಟ್ಟುಕೊಂಡರೆ ಇನ್ನೂ ಹಲವು ಪ್ರದೇಶಗಳನ್ನು ತಮಗೆ ಬೆಂಬಲಿಸುತ್ತಿದ್ದ ಸಂಸ್ಥಾನಗಳಿಗೆ ಬಿಟ್ಟುಕೊಟ್ಟರು. ದುರಾದೃಷ್ಟವೆಂದರೆ ಅವರು ಅನ್ಯ ಭಾಷಿಕರಾಗಿದ್ದರು. ಅವರ ಆಳ್ವಕೆಯಲ್ಲಿ ಕನ್ನಡ ಮಾತನಾಡುವವರು ಅಕ್ಷರಶಃ ಅನಾಥರಾದರು.

ಮರಾಠಿ, ಉರ್ದು, ತಮಿಳು, ತೆಲುಗು ಭಾಷಿಕರ ನಡುವೆ ಕನ್ನಡಿಗರು ಇರಲೇಬೇಕಾದ ಅನಿವಾರ್ಯ ಸಂದರ್ಭ ಸೃಷ್ಟಿಯಾಯಿತು. ಆಡಳಿತಗಾರರು ಕನ್ನಡಿಗರ ಆತಂಕ ದೂರ ಮಾಡುವ ಯಾವ ಕ್ರಮವನ್ನೂ ತೆಗೆದುಕೊಳ್ಳುತ್ತಿರಲಿಲ್ಲ. ನಮಗೆ ಅನ್ಯಾಯವಾಗುತ್ತಿದೆ, ನಮ್ಮ ಭಾಷೆಗೆ ತೊಂದರೆಯಾಗುತ್ತಿದೆ ಎಂದು ಒಗ್ಗಟ್ಟಾಗಿ ಹೇಳುವ ಪರಿಸ್ಥಿತಿಯೂ ಕನ್ನಡಿಗರಿಗೆ ಇರಲಿಲ್ಲ. ನಮ್ಮದೇ ನೆಲದಲ್ಲಿ ನಾವೇ ಅಲ್ಪ ಸಂಖ್ಯಾತರೆನ್ನಿಸಿಕೊಂಡು ಬವಣೆ ಪಡುವ ಗೋಳು ನಮ್ಮದಾಗಿತ್ತು. ಸಾವಿರಾರು ವರ್ಷಗಳಿಂದ ಉಳಿದುಕೊಂಡಿದ್ದ, ಕನ್ನಡಿಗರ ಸಂಸ್ಕೃತಿಗೆ ಧಕ್ಕೆ ಉಂಟಾಯಿತು. ಇಪ್ಪತ್ತಕ್ಕೂ ಹೆಚ್ಚು ದ್ವೀಪಗಳಾಗಿ ಹಂಚಿ ಹೋಗಿದ್ದ ಕನ್ನಡ ಮಾತನಾಡುವ ಪ್ರದೇಶಗಳಲ್ಲಿ ಕನ್ನಡತನ ಉಳಿಸಿ ಕೊಳ್ಳುವುದು ಅಸಾಧ್ಯವಾಗಿತ್ತು.ಅಚ್ಚ ಕನ್ನಡ ಮಾತನಾಡುವ ಪ್ರದೇಶಗಳಲ್ಲಿ ಅನ್ಯಭಾಷಿಕರು ಅವರ ಭಾಷೆಯನ್ನು ಸುಕಾ ಸುಮ್ಮನೆ ಹೇರುತ್ತಿದ್ದರು. ಆಡಳಿತ ಅವರ ಕೈಯಲ್ಲಿದ್ದರಿಂದ ಕನ್ನಡಿಗರು ಮಣಿಯಲೇಬೇಕಾದ ಅನಿವಾರ್ಯ ಸ್ಥಿತಿ ಅದು. ಭಾಷೆ ಕಳೆದುಕೊಳ್ಳುತ್ತಿರುವ ಭೀತಿ ಒಂದೆಡೆಯಾದರೆ ಅನ್ಯಭಾಷಿಕರ ದಬ್ಬಾಳಿಕೆಗೆ ಕನ್ನಡಿಗರು ಗುರಿಯಾದರು. ಇಂಥಹ ಯಾತನಾಮಯ ಪರಿಸ್ಥಿತಿಯಲ್ಲಿ ಸಾಂಸ್ಕೃತಿಕವಾಗಿ, ಪ್ರಾದೇಶಿಕವಾಗಿ ಕನ್ನಡಿಗರೆಲ್ಲಾ ಒಂದಾಗಬೇಕೆಂಬ ಕೂಗು ಎದ್ದಿತು. ತಾತ್ವಿಕ ತಳಹದಿಯ ಮೇಲೆ ಕನ್ನಡ ಸಂಸ್ಕೃತಿ-ಕನ್ನಡಿಗರು ಒಂದುಗೂಡಲು ಆರಂಭವಾದ ಆಂದೋಲನವೇ ಕನ್ನಡ ಏಕೀಕರಣ ಚಳುವಳಿ. ಕನ್ನಡಕ್ಕೆ, ಕನ್ನಡಿಗರಿಗೆ ನಾವೆಲ್ಲಾ ಒಂದಾಗಬೇಕೆಂದು ಮೊದ ಮೊದಲಿಗೆ ಪ್ರೇರಣೆ ಕೊಟ್ಟವರು ಅಭಿವ್ಯಕ್ತಿ ಮಾಡಲು ಅವಕಾಶವಿದ್ದ ಕವಿಗಳು, ಸಾಹಿತಿಗಳು, ಕಲಾವಿದರು.ಕಥೆ-ಕವನ-ಕಾದಂಬರಿ-ಚಿತ್ರ,  ಬರಹಗಳಲ್ಲಿ ಕನ್ನಡತ್ವ ಕಾಣಿಸಿಕೊಳ್ಳತೊಡಗಿತು.

ಆ ಕಾಲಘಟ್ಟದಲ್ಲಿ ಕನ್ನಡಿಗರೆಲ್ಲರೂ ಒಂದಾಗಿ ಹೋರಾಟ ನಡೆಸುವ ವಾತಾವರಣ ಇರಲಿಲ್ಲ. ಇಂಗ್ಲೆಂಡ್ ನ ವ್ಯಾಪಾರಿ ಸಂಸ್ಥೆಯೊಂದು ಭಾರತದಲ್ಲಿ ಅಂದಾದುಂದಿ ಆಡಳಿತ ನಡೆಸುತ್ತಿತ್ತು. ಇದರಿಂದ ಇಂಗ್ಲೆಂಡ್ ನ ಪ್ರತಿಷ್ಟೆಗೆ ಪೆಟ್ಟು ಬಿದ್ದಾಗ ಸ್ವತಃ ಬ್ರಿಟನ್ ರಾಣಿಯೇ ಭಾರತದ ಆಡಳಿತವನ್ನು ನೇರವಾಗಿ ಕೈಗೆತ್ತಿಕೊಂಡರು. ಆಗ ಅಲ್ಲಿದ್ದ ಬಿಗಿವಾತಾವರಣ ಕಡಿಮೆಯಾಯಿತು. ಆಗ ಆಡಳಿತ ನಡೆಸಲು ಬಂದ ಕೆಲವು ಅಧಿಕಾರಿಗಳು ಕನ್ನಡಿಗರ ಪರಿಪಾಟಲುಗಳನ್ನ ನೋಡಿ ವಾಸ್ತವತೆ ಸ್ಥಿತಿಯನ್ನು ಮೇಲಾಧಿಕಾರಿಗಳಿಗೆ ವರದಿ ನೀಡಿದರು. ಆ ಸಮಯದಲ್ಲಿ ಕನ್ನಡಿಗರ ಬಗೆಗೆ ಸಹಾನುಭೂತಿ ಸಿಕ್ಕಿತು. ಆದರೆ ತಾವು ಇಷ್ಟೂ ವರ್ಷ ಕಳೆದುಕೊಂಡಿದ್ದನ್ನು ಮತ್ತೆ ಪಡೆಯಬೇಕಾದರೆ ಒಗ್ಗಟ್ಟಾಗಬೇಕೆಂಬ ಅಭಿಲಾಷೆ ಕನ್ನಡಿಗರಲ್ಲಿ ಮೂಡಿತು.ಅದಕ್ಕೆ ಬ್ರಿಟಿಷ್ ಅಧಿಕಾರಿಗಳು-ಸಂಶೋಧಕರು ಬೆಂಬಲ ಕೊಟ್ಟರು. ಕೇವಲ ಅನುಕೂಲಕ್ಕೆ ತಕ್ಕಂತೆ ಪ್ರದೇಶಗಳನ್ನು ತುಂಡು ತುಂಡು ಮಾಡಿದ್ದ ಬ್ರಿಟಿಷ್ ಸರ್ಕಾರದ ನೀತಿಯನ್ನು ದೇಶದ ಕೆಲವೆಡೆ ವಿರೋಧಿಸುವ ಕಾರ್ಯ ನಡೆಯಿತು.ವಾಸ್ತವಾಂಶ ಗೊತ್ತಿದ್ದ ಕೆಲ ಇಂಗ್ಲೀಷ್ ಅಧಿಕಾರಿಗಳೂ “ಭಾಷೆ”ಯ ಆಧಾರದ ಮೇಲೆ ಪ್ರಾಂತ್ಯಗಳನ್ನು ವಿಂಗಡಿಸಲು ಸೂಚಿಸಿದರು. ಆದರೆ ಇದರಿಂದ ಹೆಚ್ಚಿನ ಪ್ರಗತಿಯೇನೂ ಆಗಲಿಲ್ಲ. ಯಥಾಸ್ಥಿತಿ ಮುಂದುವರಿಯಿತು. ಕರ್ನಾಟಕದಲ್ಲಿ  ಕನ್ನಡಕ್ಕೆ ಶಾಲೆಗಳಲ್ಲಿ ಹೆಚ್ವಿನ ಮಾನ್ಯತೆ ಸಿಕ್ಕಿತು. ಕೆಲವು ಕನ್ನಡ ಶಾಲೆಗಳು ಪ್ರಾರಂಭವಾದವು.

19 ನೇ ಶತಮಾನದ ಕೊನೆ ವೇಳೆಗೆ ಭಾರತ ಸ್ವತಂತ್ರವಾಗಬೇಕೆಂಬ ಕೂಗು ಎಲ್ಲೆಡೆ ಕೇಳಿಬಂತು. ಆಡಳಿತದ ಅನುಕೂಲಕ್ಕಾಗಿ ವಿಭಜನೆಯಾದ ಭಾಷಿಕರೂ ಸ್ವಾತಂತ್ರ್ಯ ಚಳುವಳಿಗೆ ದೊಡ್ಡ ಪ್ರಮಾಣದಲ್ಲಿಯೇ ಕೈ ಜೋಡಿಸಿದರು. ಭಾಷಾವಾರು ಪ್ರಾಂತ್ಯಗಳು ರಚನೆಗೊಳ್ಳಬೇಕೆಂಬ ಒಳಷರತ್ತಿನೊಡನೆ ಹೋರಾಟ ಮೊದಲಾಯಿತು. ಅದಕ್ಕೆ ಕನ್ನಡ ನಾಡು ಸೇರಿತು, ಕರ್ನಾಟಕ ಏಕೀಕರಣದ ಆಗ್ರಹವೂ ಅದರಲ್ಲಿತ್ತು. ಕನ್ನಡ ಮಾತನಾಡುವ. ಪ್ರದೇಶಗಳಲ್ಲಿ ಮುಂಬೈ ಭಾಗ ಹಾಗೂ ನಿಜಾಮ್ ಆಡಳಿತದ ಪ್ರಾಂತ್ಯಗಳು ಕನ್ನಡಿಗರಿಗೆ ತೊಂದರೆ ಒಡ್ಡಿದ್ದವು. ಒಂದೆಡೆ ಮರಾಠಿ ಪ್ರಾಬಲ್ಯ ಇನ್ನೊಂದೆಡೆ ಉರ್ದು ಹೇರಿಕೆ. ಕನ್ನಡಿಗರದು ಉಸಿರು ಕಟ್ಟಿದಂತ ಪರಿಸ್ಥಿತಿ. ಮುಂಬೈ ವಲಯದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಕನ್ನಡ ಭಾಷೆ ಬೆಳೆಸಲು ಹೆಚ್ಚಿನ ಒತ್ತಾಸೆಗಳು ಆರಂಭಗೊಂಡರು. ಇದಕ್ಕೆ ಶಾಂತ ಕವಿಗಳು,  ಡೆಪ್ಯೂಟಿ ಚೆನ್ನಪ್ಪನವರು ಭದ್ರ ಬುನಾದಿಯನ್ನು ಒದಗಿಸಿಕೊಟ್ಟರು. ಕನ್ನಡದ ಚಟುವಟಿಕೆಗಳು ಶಾಲೆಗಳ ಹೊರಗೂ ಪ್ರಾರಂಭಗೊಂಡವು. ರಾ.ಹ ದೇಶಪಾಂಡೆ ಅವರು ಸಮಾನ ಮನಸ್ಕರೊಂದಿಗೆ ಸ್ಥಾಪಿಸಿದ ‘ಕರ್ನಾಟಕ ವಿದ್ಯಾವರ್ಧಕ ಸಂಘ’ ಕನ್ನಡ ಪರದನಿ ಎತ್ತಲು ಸಾಂಸ್ಥಿಕ ರೂಪಕೊಟ್ಟಿತು. ಕನ್ನಡ ‘ವಾಗ್ಭೂಷಣ’ ಪತ್ರಿಕೆ ಏಕೀಕರಣದ ಅಗತ್ಯತೆಯನ್ನು ಸ್ಪಷ್ಟವಾಗಿ ಪ್ರಕಟಿಸಿತು. ಅಸ್ಸಾಂ,  ಬಂಗಾಲ, ಗುಜರಾತ್ ಮೊದಲಾದ ಕಡೆಗಳಲ್ಲಿ ಸ್ಥಳೀಯ ಭಾಷೆಗಳ ನೆಲೆಯಲ್ಲಿ ನಡೆಸಿದ ಚಳುವಳಿಗಳನ್ನು ಗಮನಿಸುತ್ತಿದ್ದ ಮುಂಬಯಿ ಭಾಗದ ಕನ್ನಡಿಗರು ಕನ್ನಡ ಏಕೀಕರಣದ ಧ್ವನಿಯನ್ನು ನಿರಂತರವಾಗಿ ಉಳಿಸಿಕೊಂಡು ಬಂದರು. ಇದೇ ಹಾದಿಯಲ್ಲಿ ಅಖಿಲ ಕರ್ನಾಟಕ ಗ್ರಂಥಕರ ಸಮ್ಮೇಳನವೂ ನಡೆಯಿತು.ಎಲ್ಲವೂ ಏಕೀಕರಣಕ್ಕೆ ಪೂರಕವಾದ ವಾತಾವರಣವನ್ನು ಹುಟ್ಟುಹಾಕಿದವು. ಮೈಸೂರು ಪ್ರಾಂತ್ಯದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು 1915 ರಲ್ಲಿ ಜನ್ಮತಾಳಿ ಕನ್ನಡ ಸಾಹಿತ್ಯ ಸಮ್ಮೇಳನಗಳನ್ನು ಕನ್ನಡ ಮಾತನಾಡುವ ಪ್ರದೇಶಗಳಲ್ಲಿ ಏರ್ಪಡಿಸಿ ಅಲ್ಲಿ ಕನ್ನಡಪರ, ಕರ್ನಾಟಕಪರ ಚಿಂತನೆಗಳು ಹೊರ ಹೊಮ್ಮುವಂತೆ ಮಾಡಿತು.

ಕರ್ನಾಟಕದ ಭವ್ಯ ಇತಿಹಾಸ, ಕನ್ನಡ ಸಾಹಿತ್ಯದ ಶ್ರೀಮಂತಿಕೆ , ಕನ್ನಡ ನೆಲದ ವೈಶಿಷ್ಟ್ಯ ಮುಂತಾದ ವಿಷಯಗಳನ್ನು ಒಳಗೊಂಡ ಹಲವಾರು ಕೃತಿಗಳು ಕನ್ನಡಿಗರ ಕೈ ತಲುಪಿದವು. ಎಲ್ಲವೂ ಕರ್ನಾಟಕತ್ವವನ್ನು ಪ್ರತಿಪಾದಿಸುತ್ತಿದ್ದವು. ರಾಷ್ಟೀಯ ಹೋರಾಟದ ಜೊತೆ ಜೊತೆಗೆ ಕರ್ನಾಟಕ ಏಕೀಕರಣ ಚಳುವಳಿಯೂ ಹೆಜ್ಜೆ ಹಾಕಿತು.ಭಾರತದಲ್ಲಿ ಭಾಷಾವಾರು ಪ್ರಾಂತ್ಯಗಳು ಅಗತ್ಯವೆಂಬ ಮುಂದಾಲೋಚನೆಯಿಂದ ಕಾಂಗ್ರೆಸ್ ಪಕ್ಷ ಸಮಿತಿಗಳು ಭಾಷೆಯ ಆಧಾರದ ಘಟಕಗಳಾಗುವಂತೆ ಶ್ರಮಿಸಿದ್ದವು. ಮಹಾತ್ಮಗಾಂಧಿ ಅವರು ಅಖಿಲ ಭಾರತ ಕಾಂಗ್ರೆಸ್ ವಾರ್ಷಿಕ ಅಧಿವೇಶನದ ಅಧ್ಯಕ್ಷತೆ ವಹಿಸಿದ್ದು ಅದರ ಇತಿಹಾಸದಲ್ಲಿ ಒಮ್ಮೆ ಮಾತ್ರ. ಅದು ನಡೆದದ್ದು ಕನ್ನಡದ ನೆಲ ಬೆಳಗಾವಿಯಲ್ಲಿ (1924). ಇದೇ ಸಮ್ಮೇಳನ ಕರ್ನಾಟಕ ಏಕೀಕರಣದ ಮುನ್ನುಡಿ ಬರೆಯಲು ಪ್ರೇರೇಪಿಸಿತು. ಕರ್ನಾಟಕ ಏಕೀಕರಣ ಚಳುವಳಿ ಜೀವಂತವಾಗಿಯೇ ಇತ್ತು.ಸ್ವಾತಂತ್ರ್ಯಾ ನಂತರ  ಕಾಂಗ್ರೆಸ್ ಅಗ್ರಗಣ್ಯ ನಾಯಕರಲ್ಲೊಭ್ಬರಾದ ಎಸ್.ನಿಜಲಿಂಗಪ್ಪ ಎಡಬಿಡದೇ ಆಗಿನ ಪ್ರಧಾನಿ ಸೆಹರೂ ಅವರನ್ನು ಏಕೀಕರಣಕ್ಕಾಗಿ ನಿರ್ಧಾರ ತೆಗೆದುಕೊಳ್ಳಲು ನೆನಪು ಮಾಡುತ್ತಲೇ ಇದ್ದರು. ಸ್ವಾತಂತ್ರ್ಯಪೂರ್ವದಲ್ಲಿ ಕಾಂಗ್ರೆಸ್ ನೀಡಿದ್ದ ಆಶ್ವಾಸನೆಗಳನ್ನು ಒಪ್ಪಿಕೊಳ್ಳಲು ಕೇಂದ್ರ ಸರ್ಕಾರ ಹಿಂದೇಟು ಹಾಕಿತು. ಆಂಧ್ರ ಉದಯದ ಸಮಯದಲ್ಲಿ ಬಳ್ಳಾರಿ ಮೈಸೂರಿಗೆ ಸೇರ್ಪಡೆಯಾದ ಸಂಭ್ರಮದ ಗಳಿಗೆಯಲ್ಲಿ ಯುವಕ ರಂಜಾನ್ ಸಾಬ್ ಅಸುನೀಗಿದರು. ಈ ಪ್ರಾಣಿಬಲಿ ಹಿಂದೆಯೇ ಕನ್ನಡಿಗರು ಅಮರಾಣಾಂತ ಉಪವಾಸ,  ಸತ್ಯಾಗ್ರಹ ಅಸ್ತ್ರಪ್ರಯೋಗಿಸಿದರು.ದೊಡ್ಡ ಮೇಟಿ ಹಾಗೂ ಅದರ ಗುಂಚಿ ಶಂಕರಕಲ್ಲನ ಗೌಡ ಪಾಟೀಲರು ಉಪವಾಸ ಕೂತರು. ಪರಿಸ್ಥಿತಿ ಬಿಗಡಾಯಿಸಿತು. ಅಧಿಕಾರರೂಢ ಕಾಂಗ್ರೆಸ್ ಕೈಚೆಲ್ಲಿ ಕುಳಿತಾಗ ಕಾಂಗ್ರೆಸೇತರ ಪಕ್ಷಗಳು ಚಳುವಳಿ ಕೈಗೆತ್ತಿಕೊಂಡವು. ಅದರಲ್ಲಿ ಕಮ್ಯುನಿಷ್ಟ್ ಹಾಗೂ ಪ್ರಜಾ ಸಮಾಜವಾದಿ ಪಕ್ಷವಾದಿ ಮುಖ್ಯವಾದವು.

ಆ ವೇಳೆಗೆ ಅಸ್ತಿತ್ವಕ್ಕೆ ಬಂದಿದ್ದ ಅಖಿಲ ಕರ್ನಾಟಕ ರಾಜ್ಯ ನಿರ್ಮಾಣ ಪರಿಷತ್ತು ಏಕೀಕರಣಕ್ಕಾಗಿ ಹೋರಾಟಕ್ಕೆ ಇಳಿಯಿತು. ಪ್ರತಿಭಟನೆ-ಮೆರವಣಿಗೆ ಉಪವಾಸ, ಸಮ್ಮೇಳನ ಇವೆಲ್ಲ ಅವ್ಯಾಹತವಾಗಿ ನಡೆಯಲಾರಂಭಿಸಿದ್ದರಿಂದ ಅನ್ಯಮಾರ್ಗವಿಲ್ಲದೆ ಕೇಂದ್ರ ಸರ್ಕಾರ ನಾ!! ಫಜಲ್ ಆಲಿ ಅವರ ನೇತೃತ್ವದಲ್ಲಿ ಇನ್ನೊಂದು ಆಯೋಗವನ್ನು ನೇಮಿಸಿತು. ಜವಾಹರಲಾಲ ನೆಹರೂ ಅವರಿಗೆ ಕರ್ನಾಟಕ ಏಕೀಕರಣ ಮಾಡಬೇಕಾದ ಅನಿವಾರ್ಯತೆ ಅರ್ಥವಾಗಿತ್ತು. ರಾಜ್ಯ ವಿಂಗಡನಾ ಆಯೋಗವೆಂದು ಉಲ್ಲೇಖಿಸಲ್ಪಟ್ಟ ಈ ಸಮಿತಿಯಲ್ಕಿ ಎಚ್.ಎನ್. ಕುಂಜ್ರು ಹಾಗೂ ಕೆ.ಎಂ. ಫಣಿಕ್ಕರ್ ಸದಸ್ಯರಾಗಿದ್ದರು. ಈ ಮೂವರ ಸಮಿತಿ ಕರ್ನಾಟಕ ಏಕೀಕರಣದ ಎಲ್ಲಾ ಮಗ್ಗುಲುಗಳನ್ನು ಪರಿಶೀಲಿಸಿತು. ಕೊನೆಗೆ ಕನ್ನಡ ರಾಜ್ಯ ಏಕೀಕರಣಗೊಳ್ಳಲು ಪಕ್ವವಾಗಿದೆ ಎಂಬ ವರದಿಯನ್ನು 1955 ರ ಸೆಪ್ಟಂಬರ್ 30 ರಂದು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿತು. ಏಕೀಕರಣಕ್ಕೆ ಲೋಕಸಭೆ,  ರಾಜ್ಯಸಭೆಗಳೂ  ಒಪ್ಪಿಗೆ ಕೊಟ್ಟ ನಂತರ ರಾಷ್ಟ್ರಪತಿಗಳ ಅಂಕಿತ ಬಿತ್ತು. ಶತಕಗಳಷ್ಟು ಚರಿತ್ರೆ ಇದ್ದರೂ ಎಂದೂ ಏಕಾಡಳಿತಕ್ಕೆ ಒಳಪಡದಿದ್ದ ಕನ್ನಡಿಗರು 1956 ರ ನವೆಂಬರ್ 1 ರಂದು ಒಂದು ರಾಜ್ಯದ ಆಡಳಿತಕ್ಕೆ ಒಂದಾದರು. ಕರ್ನಾಟಕ ರಾಜ್ಯ ರಚನೆಗೆ ಅಂತಿಮ ಅಂಕಿತ ಹಾಕಿದ್ದ ಆಗಿನ ರಾಷ್ಟ್ರಪತಿಗಳಾದ ಬಾಬು ರಾಜೇಂದ್ರಪ್ರಸಾದ್ ಅವರು ಬೆಂಗಳೂರಿನ ಸೆಂಟ್ರಲ್ ಕಾಲೇಜು ಆವರಣದಲ್ಲಿ ವಿಧ್ಯುಕ್ತವಾಗಿ ಮೈಸೂರು (ಕರ್ನಾಟಕ) ರಾಜ್ಯ ಉದಯವನ್ನು ಘೋಷಿಸಿದರು. ವಿಪರ್ಯಾಸವೆಂದರೆ ಬಹುತೇಕ ಕನ್ನಡ ಮಾತನಾಡುವ ಪ್ರದೇಶಗಳು ಆಂಧ್ರ , ತಮಿಳುನಾಡು, ಮಹಾರಾಷ್ಟ್ರ, ಕೇರಳಗಳಲ್ಲಿಯೇ ಉಳಿದು ಬಿಟ್ಟವು. ಕನ್ನಡಿಗರ ಹೊಸ ರಾಜ್ಯಕ್ಕೆ ಮೈಸೂರು ಎಂದು ಕರೆದಿದ್ದು ಅಸಮಾಧಾನಕ್ಕೆ ಕಾರಣವಾಯಿತು. ಇದು ನಡೆದ 17 ವರ್ಷಗಳ ತರುವಾಯ ಸಿ. ದೇವರಾಜ ಅರಸು ಮುಖ್ಯಮಂತ್ರಿಗಳಾಗಿದ್ದಾಗ ಏಕೀಕೃತ ರಾಜ್ಯಕ್ಕೆ ಕರ್ನಾಟಕವೆಂದು ಮರು ನಾಮಕರಣವಾಗಿ ತೃಪ್ತಿಗೆ ಹಾದಿ ಮಾಡಿಕೊಟ್ಟಿತು.

ಈ ಮೇಲೆ ಹೇಳಿರುವುದೆಲ್ಲಾ ಕಥೆಯಲ್ಲ , ಬದಲಾಗಿ ನಡೆದ ಇತಿಹಾಸದ ಒಂದೊಂದು ಅಕ್ಷರಗಳ ಮುತ್ತುಗಳು. ಅಷ್ಟೊಂದು ಮಹನೀಯರುಗಳ ಪರಿಶ್ರಮದ ಫಲವಾಗಿಯೇ ಇಂದು ಅಖಂಡ ಕರ್ನಾಟಕದಲ್ಲಿ  ನಾವೆಲ್ಲಾ ಅತ್ಯಂತ ಸಂತೋಷದಿಂದ ಜೀವಿಸುತ್ತಿದ್ದೇವೆ. ಜೇನಿನಂಥ ಸಂಸಾರದಲ್ಲಿ ಹುಳಿ ಹಿಂಡುವ ಕೆಲಸವನ್ನು ಕೆಲ ನಾಯಕರುಗಳು ಅನಾವಶ್ಯಕವಾಗಿ ಮಾಡುತ್ತಿದ್ದಾರೆ. ಜನರು ಮುಗ್ಧರೇ, ಆದರೆ ಜನಗಳನ್ನಾಳುವ ಜನಪ್ರತಿನಿಧಿಗಳು ಮುಗ್ಧರಲ್ಲ.ಚಾಟಿ ಇಲ್ಲದೇ ಬುಗುರಿ ತಿರುಗಿಸುವ ಪ್ರವೀಣರು. ವಾಸ್ತವದಲ್ಲಿ ಅಖಂಡ ಕರ್ನಾಟಕವನ್ನ ಹಿಬ್ಬಾಗ ಮಾಡಲು ಪ್ರಯತ್ನಿಸುತ್ತಿರುವವರಿಗೆಲ್ಲಾ ಏನು ಸಿಗುವುದಿಲ್ಲ ಮತ್ತು ಅದರಿಂದ ಏನೂ ಲಾಭವಾಗುವುದಿಲ್ಲ. ಬದಲಾಗಿ ರಾಜಕಾರಣಿಗಳು ಲಾಭ ಪಡೆದುಕೊಳ್ಳುತ್ತಾರೆ. ಅಭಿವೃದ್ಧಿಯಾಗಲಿಲ್ಲ ಎಂಬ ಒಂದೇ ಕಾರಣ ಇಟ್ಟುಕೊಂಡು ರಾಜ್ಯವನ್ನು ವಿಭಜನೆ ಮಾಡಲು ಹೊರಟಿರುವ ಮುಗ್ಧಜನರಿಗೇನು ಗೊತ್ತು ಇದು ರಾಜಕೀಯದ ದೊಂಬರಾಟವೆಂದು. ಹೈದರಾಬಾದ್ ಕರ್ನಾಟಕ ಮತ್ತು ಮುಂಬೈ ಕರ್ನಾಟಕ ಎಂದು ಅವರೇ ಹೇಳಿಕೊಳ್ಳುತ್ತಿರುವ ಮಾತುಗಳು. ಇಲ್ಲಿ ಯಾವ ಸರ್ಕಾರಗಳಾಗಲೀ , ಮೀಡಿಯಾದವರಾಗಲೀ ಹೇಳುತ್ತಿಲ್ಲ. ಹೈದರಾಬಾದ್ ಕರ್ನಾಟಕಕ್ಕೆ 371J ಎಂಬ ಸಂವಿಧಾನಾತ್ಮಕ ವಿಶೇಷ ಸ್ಥಾನಮಾನವನ್ನು ನೀಡಿ ಆ ಭಾಗದ ಸರ್ವತೋಮುಖ ಅಭಿವೃದ್ಧಿಗೆ ಅದಕ್ಕೆ ಪೂರಕವಾದ ಸವಲತ್ತುಗಳನ್ನು ನೀಡಲಾಗುತ್ತಿದೆ. ಅದನ್ನು ಸದ್ಭಳಕೆ ಮಾಡಿಕೊಳ್ಳಬೇಕಾಗಿರುವುದು ರಾಜಕಾರಣಿಗಳು ಮತ್ತು ಆಯಾ ಕ್ಷೇತ್ರದ ಎಂ.ಎಲ್.ಎ ಮತ್ತು ಎಂ.ಪಿಗಳದ್ದು. ಅಭಿವೃದ್ದಿ ಎಂಬ ಮಂತ್ರದ ಮೂಲಕ ಹುಳಿ ಹಿಂಡುವ ಕೆಲಸ ಮಾಡುತ್ತಿರುವ ವ್ಯಕ್ತಿಗಳು ಅಥವಾ ನಾಯಕರುಗಳು ಜನಪ್ರತಿನಿಧಿಗಳ ಕೊರಳಪಟ್ಟಿ ಹಿಡಿದು ಕೇಳಬೇಕು. ಸ್ವಾತಂತ್ರ್ಯಾ ನಂತರ ಅಥವಾ ಕರ್ನಾಟಕ ಏಕೀಕರಣವಾದ ನಂತರ ಹೈದರಾಬಾದ್ ಕರ್ನಾಟಕಕ್ಕೆ ಅಥವಾ ಉತ್ತರ ಕರ್ನಾಟಕಕ್ಕೆ ಎಷ್ಟು ಅನುಧಾನ ನೀಡಿದ್ದಾರೆಂದು ಅಂಕಿ ಅಂಶಗಳನ್ನು ನೋಡಿದರೆ ತಿಳಿಯುತ್ತದೆ.

ಹಾಗೆ ನೆನ್ನೆಯ ದಿನ ದಿನಾಂಕ  05.08.2018 ರ ಪ್ರಜಾವಾಣಿ ಪತ್ರಿಕೆಯ ಕಡೆ ಕಣ್ಣಾಯಿಸಿದೆ. ಈ ಸಲದ ಬಜೆಟ್ ನಲ್ಲಿ ಉತ್ತರ ಕರ್ನಾಟಕಕ್ಕೆ ಎಷ್ಟು ಅನುಧಾನವನ್ನು ನೀಡಿದ್ದಾರೆ ಎಂದು ಬರೆದಿತ್ತು.ಅದನ್ನು ನೋಡಿ ಆಶ್ಚರ್ಯವಾಯಿತು. 13 ಜಿಲ್ಲೆಗಳಿಗೆ ಬರೋಬರಿ 7241 ಕೋಟಿ ರೂ.ಗಳು ಮತ್ತು ಮಿಕ್ಕ ದಕ್ಷಿಣ ಜಿಲ್ಲೆಗಳಿಗೆ 7238 ಕೋಟಿ ರೂ.ಗಳು ನೀಡಿದ್ದಾರೆ. ಇದರಿಂದಲೇ ತಿಳಿಯುತ್ತದೆ ಕುಮಾರಸ್ವಾಮಿಯವರ ನೇತೃತ್ವದ ಸಮ್ಮಿಶ್ರ ಸರ್ಕಾರ ಮಲತಾಯಿ ಧೋರಣೆ ಮಾಡುತ್ತದೆಯೋ ಇಲ್ಲಾ ತಾಯಿ ಮಮತೆ ತೋರುತ್ತದೆಯೋ ಎಂದು. ಅವರು ಹೇಳಿದಂತೆ ಮಾಡಲು ಹೊರಟೇವೆಂದರೆ ಒಂದು ರಾಜ್ಯವನ್ನು ಕಟ್ಟುವುದು, ಬೆಳೆಸುವುದು ಅಷ್ಟೊಂದು ಸುಲಭದ ಮಾತಲ್ಲ. ಒಂದು ರಾಜ್ಯವನ್ನು ಹೊಸದಾಗಿ ಸೃಷ್ಟಿಸಲು ಹೋದರೆ ಸಂವಿಧಾನಾತ್ಮಕವಾಗಿ ಒಪ್ಪಿಗೆ ಇದ್ದರೂ ಆರ್ಥಿಕವಾಗಿ, ನೈಸರ್ಗಿಕವಾಗಿ, ಸ್ವಾಭಾವಿಕ ಸೌಕರ್ಯಾದಿಗಳಾಗಿ ನೋಡಕೊಳ್ಳಬೇಕಾಗುತ್ತದೆ. ಒಂದು ರಾಜ್ಯವನ್ನು ನಡೆಸಲು ಸಾಲ ತರುವುದೊಂದೇ ಮಾರ್ಗವಲ್ಲ, ಅದನ್ನು ತೀರಿಸಲು ಆದಾಯ ಬೇಕಲ್ಲವೇ? . ಆದಾಯದ ಮೂಲ ಯಾವುದಿದೆ ಉತ್ತರ ಭಾಗಕ್ಕೆ ?. ಪಕ್ಕದ ಆಂಧ್ರಪ್ರದೇಶವನ್ನು ನೋಡಿಯಾದರೂ ಬುದ್ದಿ ಕಲಿಯಬಹುದು. ಆದಾಯದ ಭಾಗವೆಲ್ಲಾ ತೆಲಾಂಗಣ ಭಾಗಕ್ಕೆ ಸೇರ್ಪಡೆಯಾಗಿ ಆಂಧ್ರಪ್ರದೇಶ ರಾಜ್ಯ ಅಭಿವೃದ್ಧಿಗೆ ಹೆಣಗಾಡುತ್ತಿದೆ. ಅದಕ್ಕಾಗಿ ಬಿಜೆಪಿಯ ಮೈತ್ರಿ ಪಕ್ಷವಾಗಿ ಚಂದ್ರಬಾಬುನಾಯ್ಡು ಸರ್ಕಾರ ಗುರುತಿಸಿಕೊಂಡರೂ ಅದರಿಂದ ಏನೂ ಪ್ರಯೋಜನವಾಗದೇ ಮೈತ್ರಿಯಿಂದ ಹೊರಬಂದದ್ದು ಈಗ ಇತಿಹಾಸ. ಹೊಸ ರಾಜಧಾನಿ ಸೃಷ್ಠಿಸಲು ಹರಸಾಹಸ ಪಡುತ್ತಿದೆ. ಅದರಂತೆಯೇ ಸಂಕಷ್ಟಗಳನ್ನು ಎದುರಿಸಬೇಕಾಗುತ್ತದೆ. ಪ್ರಸ್ತುತವಾಗಿ ಇರುವಂತ ಅಖಂಡ ಕರ್ನಾಟಕಕ್ಕೆ ಆದಾಯವೆಂದರೆ ಸಾಫ್ಟ್ ವೇರ್ ಮತ್ತು ಕೈಗಾರಿಕ ವಲಯಗಳು.ಇವೆರಡೂ ದಕ್ಷಿಣ ಭಾಗದಲ್ಲಿ ಇರುವುದರಿಂದ ಉತ್ತರಕ್ಕೆ ಅನಾನುಕೂಲವಾಗುವುದರಲ್ಲಿ ಸಂದೇಹವಿಲ್ಲ. ನೈಸರ್ಗಿಕವಾಗಿಯೂ ಕೂಡ ದಕ್ಷಿಣ ಕರ್ನಾಟಕ ಬಹಳ ಆದಾಯದಲ್ಲಿದೆ.

ದಕ್ಷಿಣದವರು ನಮಗೆ ಯಾವ ರೀತಿಯ ಬೆಂಬಲವನ್ನು ನೀಡುತ್ತಿಲ್ಲ ಎಂಬ ಆರೋಪ ಎಷ್ಟು ಸರಿ ?.ಕಳಸಾ ಬಂಡೂರಿ ವಿಚಾರದಲ್ಲಿ ಎಲ್ಲರೂ ಅವರ ಬೆಂಬಲಕ್ಕೆ ನಿಂತಿಲ್ಲವೇ? .ಇತ್ತೀಚಿಗಷ್ಟೇ ಕೇಂದ್ರದ ಪ್ರತಿಷ್ಟಿತ ವಿದ್ಯಾಕೇಂದ್ರ ಐ.ಐ.ಟಿ ಯನ್ನು ಧಾರವಾಡಕ್ಕೆ ನೀಡಲಿಲ್ಲವೇ? . ಕರ್ನಾಟಕ ಏಕೀಕರಣಕ್ಕೆ ಅರವತ್ತು ತುಂಬಿದ ಸಂಭ್ರಮದಲ್ಲಿ ಸುವರ್ಣ ಕರ್ನಾಟಕದ ನೆನಪಿಗಾಗಿ ಅವರ ಇಚ್ಛೆಯಂತೆ ಸುಮಾರು 594 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಆಡಳಿದ ಶಕ್ತಿಕೇಂದ್ರವಾದ ವಿಧಾನ ಸೌಧದ ತದ್ರೂಪು ಎಂಬಂತೆ “ಸುವರ್ಣ ಸೌಧ” ವನ್ನು ಬೆಳಗಾವಿಯಲ್ಲಿ ನಿರ್ಮಾಣ ಮಾಡಿಲ್ಲವೇ?. ದೂರದಿಂದ ಬರಲಾಗದು ಎಂಬ ಉದ್ದೇಶದಿಂದ ಹುಬ್ಬಳ್ಳಿಯಲ್ಲಿ ಸಂಚಾರಿ ಉಚ್ಚನ್ಯಾಯಾಲಯವನ್ನು ಸ್ಥಾಪಿಸಲಾಯಿತು. ಇನ್ನು ಹಲವು ಪ್ರತಿಷ್ಟಿತ ಯೋಜನೆಗಳನ್ನು ಉತ್ತರ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನದ ಅಭಿಮಾನದ ಮೇಲೆ ನೀಡಲಾಗಿದೆ. ಹೀಗಿರುವಾಗ ಇಲ್ಲಿ ಅಭಿವೃದ್ಧಿ ಆಗಿಲ್ಲವೆಂಬ ಅನುಮಾನವೇಕೆ? . ಲೋಕಸಭೆಯಲ್ಲಿ,  ವಿಧಾನಸಭೆಯಲ್ಲಿ ಮಾತನಾಡಿ ಕ್ಷೇತ್ರದ ಅಭಿವೃದ್ಧಿಯ ಬಗ್ಗೆ ಅರಿವು ಮೂಡಿಸು ಅನುದಾನವನ್ನು ಬಿಡುಗಡೆಗೊಳಿಸಿಕೊಂಡು ಮಾದರಿ ಕ್ಷೇತ್ರಗಳಾಗಿ ಮಾಡಿ ಜನರ ವಿಶ್ವಾಸವನ್ನು ಗೆಲ್ಲಬೇಕಾದದ್ದು ಜನಪ್ರತಿನಿಧಿಗಳ ಕೆಲಸ. ಹೋರಾಟ ಮಾಡಲೆಂದು ಹಳ್ಳಿಯ ಜನಗಳಿಗೆ 100/- ಅಥವಾ  200/- ರೂ.ಗಳ ಕೊಟ್ಟು ಪ್ರತಿಭಟನೆ ಮಾಡಿಸಿದರೆ ಪಾಪ ಅವರಿಗೆ ಸಿಗುವುದಾದರೂ ಏನು ?.

ಮೊದಲೇ ಹೇಳಿದಂತೆ ಒಂದು ರಾಜ್ಯಕ್ಕೆ ಆದಾಯದ ಮೂಲ ಎಂದರೆ ತೆರಿಗೆ. ತೆರಿಗೆ ವಸೂಲಿ ಮಾಡಬೇಕೆಂದರೆ ಅವರಿಗೆ ಪೂರಕವಾದ ಮೂಲಸೌಲಭ್ಯಗಳ ಒದಗಿಸಬೇಕು. ಬಂಡವಾಳ ಶಾಹಿಗಳಿಂದ ಬಂಡವಾಳ ಹೂಡಿಕೆ ಮಾಡಿದಾಗ ಮಾತ್ರ ತೆರಿಗೆ ಬಂದು ಒಂದು ಸರ್ಕಾರನ್ನು ನಡೆಸಲು ಆಗುವುದು. ಈಗಿನ ಪರಿಸ್ಥಿತಿಯನ್ನು ಗಮನಿಸಿದಾಗ ಕೇಂದ್ರ ಸರ್ಕಾರ ಎಷ್ಟರ ಮಟ್ಟಿಗೆ ಬೆಂಬಲವಾಗಿ ನಿಲ್ಲುತ್ತದೆ ತಿಳಿದಿಲ್ಲ. ಒಮ್ಮತವಾದ ಸರ್ಕಾರ ಒಮ್ಮೆಯೂ ಬಂದಿಲ್ಲ. ಕೇಂದ್ರದಲ್ಲಿ ಒಂದು ಪಕ್ಷವಾದರೆ, ರಾಜ್ಯದಲ್ಲಿ ಇನ್ನೊಂದು ಪಕ್ಷ. ಯಾವಾಗಲೂ ದಾಯಾದಿಯ ಹಗೆಯಂತೆಯೇ ಮಲತಾಯಿ ಧೋರಣೆ ತೋರಿಸುತ್ತಾ ಬಂದಿವೆ. ಅನುದಾನವನ್ನೂ ಸಹ ನಮ್ಮ ರಾಜ್ಯಕ್ಕೆ ಸರಿಯಾಗಿ ವಿತರಣೆ ಮಾಡುವುದಿಲ್ಲ. ಇದು ನಮ್ಮ ಕರ್ನಾಟಕದ ದುರಾದೃಷ್ಟ ಎನ್ನಬಹುದು. ಇನ್ನು ರಾಜ್ಯ ಹೋಳಾದರೆ ಖಂಡಿತವಾಗಿಯೂ ಸಹಾಯ ಮಾಡುತ್ತದೆ ಎಂಬ ಯಾವ ನಂಬಿಕೆಯೂ ಇಲ್ಲ. ಮೊದಲೆ ಉತ್ತರ ಕರ್ನಾಟಕ ಬಯಲು ಸೀಮೆ, ಬಿಸಿಲನಾಡು ಎಂದೆಲ್ಲಾ ಖ್ಯಾತಿಗಳಿಸಿದೆ. ಹೀಗಿರುವಾಗ ವಿಭಜನೆಯಾಗಿ ಸಿಗುವ ಸವಲತ್ತಿನಿಂದಲೂ ವಂಚಿತವಾಗಬೇಕಾಗುತ್ತದೆ. ಅಖಂಡ ಕರ್ನಾಟಕದಲ್ಲಿ ಆರು ಕೋಟಿ ಜನರಿದ್ದರೂ ಪಕ್ಕದ ತಮಿಳುನಾಡು ಕಾವೇರಿ ನೀರಿನ ವಿಚಾರಕ್ಕೆ ಬಂದಾಗ ಅವರ ಹಿಡಿತಕ್ಕೆ ಒಳಗಾಗುತ್ತೇವೆ. ಇನ್ನು ಇಬ್ಭಾಗವಾದರೆ ಖಂಡಿತವಾಗಿಯೂ ಅದರ ಬೆರಳ ತುದಿಯಲ್ಲಿ ಆಡಿಸಿಬಿಡುತ್ತಾರೆ.

ಅಷ್ಟಕ್ಕೂ ಇಲ್ಲಿ ನಡೆಯುತ್ತಿರುವುದು ಬರೀ ಪ್ರದೇಶಗಳ ಹಂಚಲಾಟವಲ್ಲ. ರಾಜಕೀಯದ ಚದುರಂಗದಾಟ, ಜಾತಿರಾಜಕಾರಣದ ದೊಂಬರಾಟ. ರಾಜಕಾರಣಿಗಳ ಪ್ರಕಾರ ಜಾತಿ ಆಧಾರದಲ್ಲಿ ಜನಸಂಖ್ಯೆಯನ್ನು ನೋಡಿದಾಗ ಲಿಂಗಾಯಿತರೇ ಪ್ರಾಬಲ್ಯ ಹೊಂದಿದ್ದಾರೆ ಎಂದು ತಿಳಿದು ಹೇಗಿದ್ದರೂ ಲಿಂಗಾಯಿತರು ಬಿಜೆಪಿ ಸಾರಥ್ಯ ವಹಿಸಿರುವ ಬಿ.ಎಸ್.ಯಡಿಯೂರಪ್ಪ ನವರ ಮೇಲೆ ವಿಶ್ವಾಸ ಹೊಂದಿರುತ್ತಾರೆ. ರಾಜ್ಯ ವಿಭಜನೆಯಾದರೆ ಖಂಡಿತವಾಗಿಯೂ ಉತ್ತರ ಕರ್ನಾಟಕದಲ್ಲಿ ಬಿಜೆಪಿ ಪಕ್ಷವು ಏಕಚಕ್ರಾಧಿಪತ್ಯವನ್ನು ಸಾಧಿಸಬಹುದು ಎಂಬ ದೂರಾಲೋಚನೆ. ನಿಜ ಹೇಳಬೇಕೆಂದರೆ ಇದು ದೂರಾಲೋಚನೆಯಲ್ಲ ದುರಾಲೋಚನೆ ಎಂದೇ ಹೇಳಬಹುದು. ಆದರೆ ಕಾಂಗ್ರೆಸ್ ನಲ್ಲೂ ಲಿಂಗಾಯಿತ ಘಟಾನುಘಟಿ ನಾಯಕರುಗಳಿರುವುದರಿಂದ ಬಿಜೆಪಿಗೆ ಸ್ವಲ್ಪ ಕಷ್ಟವೆಂದೇ ಹೇಳಬಹುದು. ರಾಜ್ಯ ವಿಭಜನೆ ವಿಷಯವಾಗಿ ಸನ್ಮಾನ್ಯ ಮುಖ್ಯಮಂತ್ರಿಗಳಾದ      ಕುಮಾರಸ್ವಾಮಿಯವರು ಹೇಳಿಕೆ ನೀಡಿದ್ದಾರೆ ಎನ್ನಲಾದ ವೀಡಿಯೋವನ್ನು ಸಂಪೂರ್ಣವಾಗಿ ಕೇಳಿದ ಮೇಲೆ ಒಂದು ಸ್ಪಷ್ಟವಾಯಿತು. ಅವರು ಅಲ್ಲಿ ಬಹಳ ನೋವಿನಿಂದ,  ಒತ್ತಡದಿಂದ , ಹತಾಶೆಯಿಂದ “ಬೇರೆ ರಾಜ್ಯ ಬೇಕು ಎಂದು ಕೇಳುತ್ತಿದ್ದೀರಿ ಎಂಗೋ ತಗೋಳ್ರಪ್ಪಾ” ಎಂದು ಹೇಳಿದ್ದಾರೆ. ಇದರಲ್ಲಿ ತಪ್ಪೇನಿದೆ ಒಬ್ಬ ವ್ಯಕ್ತಿಯನ್ನು ಎಡೆಬಿಡದೆ ತಿಣುಕುತ್ತಿದ್ದರೆ ಮನಸ್ಸು ಹುಚ್ಚೇಳುವುದು ಸಹಜ. ಅದರಂತೆಯೇ ಮುಖ್ಯಮಂತ್ರಿಗಳು ಮಾತನಾಡಿದ್ದಾರೆ. ಅವರೂ ಕೂಡ ಮನುಷ್ಯರಲ್ಲವೇ?  ಅವರಿಗೂ ಕೂಡ ಭಾವನೆಗಳು, ಆತ್ಮಗೌರವ, ರೋಷವೇಷ ಎಲ್ಲವೂ ಇದೆ. ಬೀದಿಗಳಲ್ಲಿ ನಾಯಿಗಳಂತೆ ವಿರೋಧ ಪಕ್ಷದ ನಾಯಕರು ಸಿಕ್ಕಸಿಕ್ಕ ಕಡೆ ಮೀಡಿಯಾ ಮುಂದೆ ಸ್ಟೇಟ್ಮೆಂಟ್ ಕೊಟ್ಟರೆ ಹೇಗೆ. ನಿಜವಾಗಿಯೂ ರಾಜ್ಯದ ಅಭಿವೃದ್ಧಿ ಕಡೆಗೆ ಗಮನ ಇದ್ದರೆ ಕೂತು ಚರ್ಚಿಸಿ ಮಾಡಬೇಕು. ಅವತಿಗೆ ಬೇಕಾಗಿರುವುದು ಅಧಿಕಾರ, ಅಭಿವೃದ್ಧಿಯಲ್ಲ.

ಸನ್ಮಾನ್ಯ ಕುಮಾರಸ್ವಾಮಿಯವರು ಟಿವಿ ಮಾಧ್ಯಮದವರ ಬಗ್ಗೆ ಮಾತನಾಡಿದ್ದಾರೆನ್ನಲಾದ ವಿಷಯವನ್ನಿಟ್ಟುಕೊಂಡು ಅವರ ತೇಜೋವಧೆ ಮಾಡಲಿಕ್ಕೆ ಹೊರಟಿರುವುದು ಎಷ್ಟು ಸರಿ. ಹೌದು ಟಿವಿ ಮಾಧ್ಯಮದವರಿಂದಲೇ ಅಖಂಡ ಕರ್ನಾಟಕ ಹೋಳಾಗಬೇಕೆಂಬ ಕೂಗು ಎದ್ದಿರುವುದು. ಕೆಲಸಕ್ಕೆ ಬಾರದ ಅದೂ ರಾಜಕಾರಣಿಗಳನ್ನೇ ಕೂರಿಸಿಕೊಂಡು ಪಬ್ಲಿಕ್ ಟಿವಿಯಲ್ಲಿ ಪ್ರತಿದಿನ ರಾತ್ರಿ 8 ಗಂಟೆಗೆ ಚರ್ಚೆ ನಡೆಯುತ್ತದೆ. ಅದು ರಾಜ್ಯದ ಹಿತವನ್ನ ಕಾಪಾಡುವ ಚರ್ಚೆಯಾಗಿರುವುದಿಲ್ಲ, ಬದಲಾಗಿ ಅವರವರ ಪಕ್ಷದವರ ಘನತೆಯನ್ನು ಬಿಂಬಿಸಿಕೊಳ್ಳುವ ಚರ್ಚೆಗಳಾಗಿರುತ್ತದೆ ಮತ್ತು ಅಕ್ಷರ ಸಹ ಬೀದಿ ನಾಯಿಗಳ ಜಗಳದಂತಿರುತ್ತದೆ.ಅದರ ಹೊರತಾಗಿ ಸಾಹಿತಿಗಳನ್ನೋ, ಚಿಂತಕರನ್ನೋ ಕರೆಸಿ ಮಾತನಾಡಬಹುದಲ್ಲ. ಅರುಣ್ ಬಡಿಗೇರ್ ಎಂಬ ನಿರೂಪಕ ತಾನೇ ಮೇಧಾವಿ ಎಂದು ತಿಳಿದುಕೊಂಡಿದ್ದಾನೆ ಮತ್ತು ವಯಸ್ಸಿಗೆ, ಹುದ್ದೆಗೆ ಮರ್ಯಾದೆ ನೀಡದೇ ಮಾತನಾಡುತ್ತಾನೆ. ಮೀಡಿಯಾದವರು ತೋರಿಸುವ ಮತ್ತು ಮಾತನಾಡುವ ವಿಷಯದಿಂದ ದೇಶಕ್ಕೆ ಅಥವಾ ರಾಜ್ಯಕ್ಕೆ ಒಳ್ಳೆಯದಾಗಬೇಕೇ ಹೊರತು ಕೆಡುಕಾಗಬಾರದು. ಇನ್ನಾದರೂ ರಾಜಕಾರಣಿಗಳು, ಸಂಘಟನೆಗಳು ಮತ್ತು ಮೀಡಿಯಾದವರು ಅನಾವಶ್ಯಕ ವಿಚಾರಗಳನ್ನು ಬಿಟ್ಟು ರಾಜ್ಯದ ಅಭಿವೃದ್ಧಿ ಬಗ್ಗೆ ಗಮನ ಹರಿಸಿ ಅಖಂಡ ಕರ್ನಾಟಕಕ್ಕೆ ದುಡಿಯಿರಿ ಎಂದು ಆಶಿಸುತ್ತೇನೆ.

ಜೈ ಕರ್ನಾಟಕ  ಜೈ ಭಾರತ

ಮಹದೇವ್ ಬಿಳುಗಲಿ
     9611339024
    

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ

ಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ

Published

on

~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ

ಅಂಬೇಡ್ಕರ್ ಅವರು ಭಾರತದ ಚರಿತ್ರೆಗಳ ರಚನೆಗೆ ಪ್ರಾಯೋಗಿಕ ಉಪಕರಣಗಳನ್ನು (ಎಂಪರಿಕಲ್ ಟೂಲ್ಸ್) ಬಳಸಿರುತ್ತಾರೆ. ಆದರೆ ಈ ಎಲ್ಲ ಉಪಕರಣಗಳು ಕೇವಲ ಚರಿತ್ರೆಯ ರಚನೆಗೆ ಮಾತ್ರ ಕಾರಣವಾಗದೆ, ಸಮೂಹಗಳ ಸಾಮಾಜಿಕ-ರಾಜಕೀಯ ಸಮಾನತೆ, ಸ್ವಾಯತ್ತತೆಯನ್ನೂ ಕಲ್ಪಿಸುವುದಕ್ಕೂ ಬದ್ಧವಾಗಿರುತ್ತವೆ. ಆರ್ಥಿಕತೆಯ ನಿಲುವುಗಳ ಮೂಲಕ ಭಾರತದ ಚರಿತ್ರೆಯನ್ನು ವ್ಯಾಖ್ಯಾನಿಸುವ ಕ್ರಮಗಳನ್ನು ಅಂಬೇಡ್ಕರ್ ಅವರು ಅತ್ಯಂತ ಕಟುವಾಗಿಯೇ ವಿಮರ್ಶಿಸುತ್ತಾರೆ.

ಸಮಾಜವಾದಿಗಳು ಮತ್ತು ಮಾರ್ಕ್ಸ್ವಾದಿಗಳು ಆರ್ಥಿಕತೆಯ ನೆಲೆಯಿಂದ ಭಾರತದಲ್ಲಿ ಚರಿತ್ರೆಗಳನ್ನು ನಿರ್ವಚಿಸುವ ಪ್ರಯತ್ನವನ್ನು ಮಾಡಿರುತ್ತಾರೆ ಎನ್ನುವುದನ್ನು ಇಲ್ಲಿ ಗಮನಿಸಬಹುದು. ಭಾರತದ ಚರಿತ್ರೆಗಳಲ್ಲಿ ದಾಖಲಾಗಿರುವ ಯಾವುದೇ ರಾಜಕೀಯ ಕ್ರಾಂತಿ/ಹೋರಾಟಗಳು ಯಾವಾಗಲೂ ಸಾಮಾಜಿಕ-ಧಾರ್ಮಿಕ ಕ್ರಾಂತಿಗಳಿಂದ ಮಾತ್ರ ಕೂಡಿರುವುದನ್ನೂ ಅಂಬೇಡ್ಕರ್ ಅವರು ಇಲ್ಲಿ ಗುರುತಿಸುತ್ತಾರೆ. ಭಾರತದಲ್ಲಿ ಅಷ್ಟೆಯಲ್ಲ, ಅಮೆರಿಕ, ಯುರೋಪ್, ಅರೇಬಿಯಾ ದೇಶಗಳಲ್ಲಿಯೂ ಇದೇ ಬಗೆಯ ಚರಿತ್ರೆಯ ನಿರ್ಮಾಣವು ನಡೆದಿರುವುದನ್ನು ನೋಡುತ್ತೇವೆ. ಮತ್ತು ಶಿವಾಜಿ, ಚಂದ್ರಗುಪ್ತ ಮೌರ್ಯ, ಸಿಖ್ ರಾಜ್ಯಗಳ ರಾಜರುಗಳಿಂದ ಕೈಗೊಳ್ಳಲಾದ ರಾಜಕೀಯ ಕ್ರಾಂತಿಗಳು, ಬುದ್ಧ, ಗುರು ನಾನಕ್ ಹಾಗೂ ಇತರ ಸಾಧು ಸಂತರ ಸಾಮಾಜಿಕ, ಧಾರ್ಮಿಕ ಚಳವಳಿಗಳ ಮೂಲಕ ಕಂಡಿರುತ್ತೇವೆ.

ಆದರೆ ಪರಿಣಾಮಗಳಲ್ಲಿ ಅಗಾಧವಾದ ವ್ಯತ್ಯಾಸಗಳನ್ನೂ ನಾವು ಇವತ್ತು ಕಾಣುತ್ತೇವೆ ಹಾಗೂ ಭಾರತದ ಚರಿತ್ರೆಗಳನ್ನು ಕುರಿತು ಬ್ರಿಟಿಶರು ತಾಳಿರುವ ಧೋರಣೆಗಳು ಅತ್ಯಂತ ದೋಷಪೂರಿತ ನೆಲೆಗಳಿಂದ ಕೂಡಿದ್ದವು ಎಂಬುದನ್ನು ಅಂಬೇಡ್ಕರ್ ಅವರು ಅತ್ಯಂತ ಬಲವಾಗಿ ನಂಬಿದ್ದರು. ಮತ್ತು ಅವುಗಳನ್ನು ಬಿಡಿಸಿ ತೋರಿಸುವುದಕ್ಕೆ ಬೇಕಾದ ಪರಿಕರಗಳನ್ನೂ ತಮ್ಮ ಅಧ್ಯಯನಗಳ ಮೂಲಕ ರೂಪಿಸಿರುತ್ತಾರೆ.

ಭಿನ್ನ ಸಂವೇದನೆಯ ಮೂಲಕ ಭಾರತವನ್ನು ಗ್ರಹಿಸಿದ ಅಂಬೇಡ್ಕರ್ ಚಿಂತನೆಗಳು ಹಾಗೂ ಸಾಮಾಜಿಕವಾಗಿ ಅತ್ಯಂತ ಸೂಕ್ಷ್ಮ ನಿಲುವುಗಳಾಗಿ ಯಾವತ್ತಿಗೂ ಚರ್ಚೆಗೆ ಒಳಪಡುತ್ತಿರುವ ‘ಅಲ್ಪಸಂಖ್ಯಾತರು’ ‘ಲಿಂಗ’ ಹಾಗೂ ‘ಜಾತಿ’ಗಳ ನಡುವೆ ಒಂದು ಬಗೆಯ ತಾರ್ಕಿಕ ನಂಟನ್ನು ಏರ್ಪಡಿಸಬಹುದು. ರಾಷ್ಟ್ರೀಯತೆಯ ಜೊತೆಗೆ ಅಲ್ಪಸಂಖ್ಯಾತರು, ಲಿಂಗ ಹಾಗೂ ಜಾತಿಯ ವಿನ್ಯಾಸಗಳನ್ನು ಇಟ್ಟು ನೋಡಿದರೆ, ರಾಷ್ಟ್ರೀಯತೆ ಎನ್ನುವುದು ಕೇವಲ ಏಕಾಕೃತಿಯ ನೆಲೆಯನ್ನಾಗಿ ಬಿಂಬಿಸಲಾಗುತ್ತದೆ. ಇಂತಹ ಏಕಾಕೃತಿ ನಿಲುವುಗಳನ್ನು ಭಗ್ನ ಮಾಡುವ ಅತ್ಯಂತ ಪ್ರಖರವಾದ ಚಿಂತನೆಗಳನ್ನು, ಅಲ್ಪಸಂಖ್ಯಾತ, ಲಿಂಗ, ಜಾತಿ ಮತ್ತು ಧರ್ಮಗಳ ವಿನ್ಯಾಸಗಳನ್ನು ನೆಲೆಯಾಗಿಸಿಕೊಂಡು ಅಂಬೇಡ್ಕರ್ ಅವರು ಚಿಂತಿಸಿರುತ್ತಾರೆ. ಹಾಗೂ ಈ ಚಿಂತನೆಗಳ ಮುಖೇನವೇ ಸಾಂಸ್ಕೃತಿಕ-ಚಾರಿತ್ರಿಕ ಬಹುಳತೆಯನ್ನು ಕಂಡರಿಸುವ ದಾರಿಗಳನ್ನೂ ಅವರ ಚಿಂತನೆಗಳಲ್ಲಿ ಕಾಣಬಹುದಾಗಿದೆ.

ಅಂದರೆ ಅಂಬೇಡ್ಕರ್ ಅವರ ಸೈದ್ಧಾಂತಿಕ ತಿಳಿವಿನ ಚೌಕಟ್ಟನ್ನು ಅರಿಯಬೇಕೆಂದರೆ, ಅವರು ಫ್ರೆಂಚ್ ಕ್ರಾಂತಿಯಿಂದ ಎರವಲು ಪಡೆದಿರುವ ಸಾಮಾಜಿಕ-ರಾಜಕೀಯ ‘ತ್ರಿಕೂಟ’ (ಟ್ರಿನಿಟಿ) ಪರಿಕಲ್ಪನೆಗಳನ್ನು ಇಲ್ಲಿ ನಾವು ಪರಿಗಣನೆಗೆ ತೆಗೆದುಕೊಳ್ಳುವ ಅಗತ್ಯವಿದೆ. ‘ಸ್ವಾತಂತ್ರ್ಯ, ಸಮಾನತೆ ಹಾಗೂ ಸಹೋದರತ್ವ’ ಎಂಬುದಾಗಿ ಈ ತ್ರಿಕೂಟ ಪರಿಕಲ್ಪನೆಗಳನ್ನು ಗುರುತಿಸಬಹುದು.

ಫ್ರೆಂಚ್ ಕ್ರಾಂತಿಯ ನಿಲುವುಗಳನ್ನು ಕುರುಡಾಗಿ ಅನುಕರಿಸುವುದಾಗಲೀ ಇಲ್ಲವೇ ಆ ಕ್ರಾಂತಿಯ ನಿಲುವುಗಳನ್ನು ಯಥಾವತ್ತಾಗಿ ಪಾಲಿಸುವುದಾಗಲೀ ಅಂಬೇಡ್ಕರ್ ಅವರ ಉದ್ದೇಶವಾಗಿರಲಿಲ್ಲ. ಆದರೆ ಈ ಕ್ರಾಂತಿಯಿಂದ ಪ್ರೇರಣೆಯನ್ನು ಮಾತ್ರ ಪಡೆದುಕೊಂಡಿರುತ್ತಾರೆ. ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳನ್ನು ಮರುಪರೀಕ್ಷಿಸುವುದು ಅಷ್ಟೆಯಲ್ಲದೆ ಅವುಗಳನ್ನು ಮರು ವಿನ್ಯಾಸಗೊಳಿಸಿರುವುದನ್ನೂ ಇಲ್ಲಿ ನೋಡಬಹುದು. ಅಂದರೆ, ಫ್ರೆಂಚ್ ಕ್ರಾಂತಿಯ ಸನ್ನಿವೇಶಕ್ಕಿಂತ ಮಿಗಿಲಾದ ಸಾಮಾಜಿಕ-ಸಾಂಸ್ಕೃತಿಕ ಆಯಾಮ ಮತ್ತು ಅರ್ಥಗಳನ್ನು ಅಂಬೇಡ್ಕರ್ ಅವರು ಈ ಪರಿಕಲ್ಪನೆಗಳಿಗೆ ಕೊಟ್ಟಿರುತ್ತಾರೆ.

ಜಾತಿಕೇಂದ್ರಿತವಾದ ಭಾರತ ದೇಶವು ವರ್ಗಕೇಂದ್ರಿತವಾದ ಫ್ರೆಂಚ್ ದೇಶಕ್ಕಿಂತ ಸಹಜವಾಗಿಯೇ ಭಿನ್ನವಾಗಿದೆ. ಈ ಸಾಮಾಜಿಕ ವಿನ್ಯಾಸಕ್ಕೆ ಅನುಗುಣವಾಗಿಯೇ ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳ ತಾತ್ವಿಕತೆಯನ್ನು ರೂಪಿಸಿರುತ್ತಾರೆ. ಸಮೂಹಗಳ ಒಳ್ಳೆಯ ಬದುಕಿಗೆ ಈ ತ್ರಿಕೂಟಗಳು ಅತ್ಯಂತ ಅವಶ್ಯವೆಂಬುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು (ರೊಡ್ರಿಗಸ್, 2002). ಚರಿತ್ರೆಯ ನಿರ್ಮಾಣದಲ್ಲಿ ಹಾಗೂ ಸಾಮಾಜಿಕ ಬದುಕುಗಳನ್ನು ಕಟ್ಟಿಕೊಳ್ಳುವಲ್ಲಿ ಈ ಸಮಾನತೆ, ಸ್ವಾತಂತ್ರ್ಯ ಹಾಗೂ ಸಹೋದರತ್ವವು ಎಷ್ಟೊಂದು ಮಹತ್ವದ ಪಾತ್ರವನ್ನು ವಹಿಸಬಲ್ಲವು ಎನ್ನುವುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು.

ಅಂಬೇಡ್ಕರ್ ಅವರು ಗಾಂಧಿ ಮತ್ತು ಕಾಂಗ್ರೇಸ್ ಸಂಘಟನೆಯನ್ನು ಕುರಿತು ‘ವ್ಹಾಟ್ ಗಾಂಧಿ ಆ್ಯಂಡ್ ಕಾಂಗ್ರೇಸ್ ಹ್ಯಾವ್ ಡನ್ ಟು ದ ಅನ್ಟಚೇಬಲ್ಸ್’ ಎಂಬ ಬರಹದಲ್ಲಿ ಸಮೂಹಗಳ ಏಳ್ಗೆಯ ನೆಲೆಯಿಂದ ವಿಶ್ಲೇಷಣೆ ಮಾಡಿರುತ್ತಾರೆ. ಅಂದರೆ ಸ್ವಾತಂತ್ರ್ಯ, ಸಮಾನತೆ ಮತ್ತು ಸಹೋದರತ್ವದಂತಹ ತ್ರಿಕೂಟ ಕಲ್ಪನೆಗಳು ಸಮೂಹಗಳ ಅಸ್ತಿತ್ವ, ಅಸ್ಮಿತೆ ಹಾಗೂ ಪ್ರಜ್ಞೆಯನ್ನು ಕುರಿತು ಮಾತ್ನಾಡಿದರೆ, ಕಾಂಗ್ರೆಸ್ ಸಂಘಟನೆಯು ರಾಷ್ಟ್ರೀಯತೆಯ ಕಲ್ಪನೆಯ ಬಗೆಗೆ ಮಾತ್ರ ಹೆಚ್ಚು ಕಾಳಜಿಯನ್ನು ವಹಿಸಿರುವುದನ್ನು ಇಲ್ಲಿ ನೋಡುತ್ತೇವೆ. ಆದರೆ ಗಾಂಧೀಜಿಯವರು ಸಾಂಪ್ರದಾಯಿಕ ರಾಷ್ಟ್ರೀಯತೆಯನ್ನು ಕುರಿತು ಯೋಚಿಸಿದರೆ, ನೆಹರೂ ಅವರು ಸಮಾಜವಾದದ ನೆಲೆಯಿಂದ ರಾಷ್ಟ್ರೀಯತೆಯ ಪ್ರಜ್ಞೆಯನ್ನು ರೂಪಿಸುವ ತುಡಿತವನ್ನು ಹೊಂದಿದ್ದರು. ಒಟ್ಟಾರೆ ರಾಷ್ಟ್ರೀಯತೆ ಬಗೆಗಿನ ನಿಲುವುಗಳಲ್ಲಿ ಬಹುಸಮಾಜಗಳು ಎದುರಿಸುವ ಸಾಮಾಜಿಕ-ರಾಜಕೀಯ ಬಿಕ್ಕಟ್ಟುಗಳು ಮಹತ್ವವನ್ನು ಪಡೆಯದೆ, ಕೇವಲ ರಾಷ್ಟ್ರ ಮತ್ತು ರಾಷ್ಟ್ರೀಯತೆಯ ಕುರಿತಾದ ಮೌಲ್ಯಗಳು ಮಾತ್ರ ಮುಂಚೂಣಿಗೆ ಬರುತ್ತವೆ.

ಹಾಗಾಗಿ ಭಾರತದ ಚರಿತ್ರೆಗಳಲ್ಲಿ ರಾಷ್ಟ್ರ, ರಾಷ್ಟ್ರ ಪ್ರಭುತ್ವ ಹಾಗೂ ರಾಷ್ಟ್ರೀಯತೆಗಳ ಮಹತ್ವ ಮತ್ತು ಹಿರಿಮೆಯ ಬಗೆಗಿರುವ ಕಾಳಜಿಗಳು, ಸಾಮಾಜಿಕ ಚರಿತ್ರೆಯನ್ನು ಬಿಂಬಿಸುವಲ್ಲಿ ಗೈರು ಆಗಿರುತ್ತವೆ. ಅಂಬೇಡ್ಕರ್ ಅವರು ಇಂತಹ ಚಾರಿತ್ರಿಕ ಲೋಪಗಳನ್ನು ಗುರುತಿಸುವ ಜೊತೆಗೆ, ರಾಜಕೀಯ ಪ್ರೇರಿತವಾದ ಚರಿತ್ರೆಗಳಿಗಿಂತ, ಸಾಮಾಜಿಕ ನೆಲೆಗಳಿಂದ ಚರಿತ್ರೆಯನ್ನು ಬರೆಯುವುದು ಎಷ್ಟೊಂದು ಮಹತ್ವದ ಕೆಲಸವೆಂಬುದನ್ನೂ ಮನಗಾಣಿಸಿದ್ದಾರೆ. ಸಾಮಾಜಿಕ ಚರಿತ್ರೆಗಳನ್ನು ಕಡೆಗಣಿಸಿ ರಾಷ್ಟ್ರೀಯತೆಯ ಕಲ್ಪನೆಯನ್ನು ಊಹಿಸುವುದು ಕೂಡ ದುಸ್ತರದ ಸಂಗತಿಯೆಂಬುದನ್ನು ಅಂಬೇಡ್ಕರ್ ಅವರು ಚಿಂತನೆಗಳು ನಮಗೆ ಮನವರಿಕೆ ಮಾಡುತ್ತವೆ. ಈ ಕಾರಣಗಳಿಂದ ‘ಚರಿತ್ರೆಯನ್ನು ಮರೆತವರು ಚರಿತ್ರೆಯನ್ನು ಸೃಷ್ಟಿಸಲಾರರು’ ಎಂಬ ನಿಲುವನ್ನು ಅತ್ಯಂತ ಬಲವಾಗಿಯೇ ಅಂಬೇಡ್ಕರ್ ಅವರು ನಂಬಿರುತ್ತಾರೆ ಎಂಬುದು ಅತ್ಯಂತ ಗಮನಾರ್ಹ ಸಂಗತಿ.

ಚರಿತ್ರೆ ಎಂಬುದು ಒಂದು ಕನಸಾಗಲೀ ಇಲ್ಲವೇ ಭ್ರಮೆಯಾಗಲೀ ಅಲ್ಲ ಹಾಗೂ ಚರಿತ್ರೆಯೆಂಬುದು ಒಂದು ನಿರ್ವಾತವೂ ಅಲ್ಲ ಮತ್ತು ತೆರಪುಗಳನ್ನು ತುಂಬುವ ಪ್ರಕ್ರಿಯೆಯೂ ಅಲ್ಲ. ಬದಲಾಗಿ ಅದೊಂದು ಸಾಮಾಜಿಕ-ಸಾಂಸ್ಕೃತಿಕ-ರಾಜಕೀಯ ಗ್ರಹಿಕೆ ಮತ್ತು ಜ್ಞಾನಶಿಸ್ತು ಆಗಿರುತ್ತದೆ. ಜ್ಞಾನಶಿಸ್ತುಗಳು ಮತ್ತು ಗ್ರಹಿಕೆಗಳು ಸಮೂಹ ಕೇಂದ್ರಿತವಾಗಿರುಬೇಕೆ ಹೊರತು ಕೇವಲ ರಾಜಕೀಯ-ಸಾಮಾಜಿಕ ಪ್ರಾಬಲ್ಯವನ್ನು ಹೊಂದಿರುವ ವ್ಯಕ್ತಿಗಳ ಇಲ್ಲವೇ ಆಳುವ ವರ್ಗಗಳನ್ನು ಮಾತ್ರ ಪ್ರತಿನಿಧಿಸುವ ವಿನ್ಯಾಸಗಳಾಗಿ ಇವುಗಳು ಇರಲಾರವು. ಚರಿತ್ರೆಯೂ ಒಂದು ಜ್ಞಾನಶಿಸ್ತೇ ಆಗಿರುವುದರಿಂದ, ಇದು ಬಹುಸಮೂಹಗಳನ್ನು ಪ್ರತಿನಿಧಿಸುವ ವಿನ್ಯಾಸವಾಗಬೇಕು ಎಂಬ ಅಚಲವಾದ ನಿಲುವನ್ನು ಅಂಬೇಡ್ಕರ್ ಅವರು ತಾಳಿದ್ದರು. ಯಾವುದೇ ಗ್ರಹಿಕೆಯು ಸಮೂಹ ಕೇಂದ್ರಿತವಾಗಿರುತ್ತದೆ ಎನ್ನುವ ನಿಲುವಿನಲ್ಲಿ ಅಂಬೇಡ್ಕರ್ ಅವರಿಗೆ ತಾತ್ವಿಕ ಹಾಗೂ ವೈಯಕ್ತಿಕವಾಗಿ ಅಪಾರವಾದ ನಂಬಿಕೆಯಿತ್ತು.

ಹಾಗಾಗಿ ಅಂಬೇಡ್ಕರ್ ಅವರು ನಿನ್ನೆಗಳನ್ನು ಕುರಿತಾದ ತಾತ್ವಿಕ ಪ್ರಶ್ನೆಗಳನ್ನು ಮೈಮೇಲೆ ಎಳೆದುಕೊಂಡು, ಅವುಗಳಿಗೆ ಉತ್ತರಗಳನ್ನು ಹುಡುಕುವ ಪ್ರಯತ್ನವನ್ನು ಮಾಡಿರುತ್ತಾರೆ. ನಿನ್ನೆಗಳು ತಮ್ಮ ಹಕ್ಕುಗಳೆಂದು ಯಾರು ವಾದಿಸುವವರೋ ಅವರೆಲ್ಲರಿಗೂ, ವರ್ತಮಾನದಲ್ಲಿ ಉಂಟಾಗಿರುವ ಬಿಕ್ಕಟ್ಟುಗಳಿಗೆ ಈ ನಿನ್ನೆಗಳು ಹೇಗೆ ಹೊಣೆಯಾಗಿವೆ ಎಂಬ ದಿಟವನ್ನು ಅರಿಯುವುದಕ್ಕೆ ಬೇಕಾದ ವಿಶ್ಲೇಷಣೆಗಳನ್ನು ಇವರು ಮಾಡಿರುತ್ತಾರೆ. ಅಂಬೇಡ್ಕರ್ ಅವರ ಈ ಹಾದಿಯು ಎಲ್ಲರಿಗೂ ಒಪ್ಪಿತವಾಗುವ ಸತ್ಯವನ್ನು ಹೇಳುವುದಲ್ಲ. ಬದಲಾಗಿ, ಎಲ್ಲ ಸಮೂಹಗಳ ಇವತ್ತಿನ ಬದುಕಿಗೆ ಅಗತ್ಯವಾಗಿರುವ ಹಾದಿಗಳನ್ನು ರೂಪಿಸುವುದಾಗಿತ್ತು. ಆದ್ದರಿಂದ, ಸದ್ಯದ ಚರಿತ್ರೆ, ಸಾಹಿತ್ಯ, ಸಂಸ್ಕೃತಿ, ಆರ್ಥಿಕತೆ ಹಾಗೂ ರಾಜಕಾರಣವನ್ನು ವಿಶ್ಲೇಷಿಸುವುದಕ್ಕೆ ಅಂಬೇಡ್ಕರ್ ಅವರು ರೂಪಿಸಿದ ಈ ತಾತ್ವಿಕ ವಿನ್ಯಾಸಗಳು ಅತ್ಯಂತ ಸಮರ್ಪಕವಾಗಿರುತ್ತವೆ. ಇವರ ಈ ತಾತ್ವಿಕ ವಿನ್ಯಾಸಗಳಲ್ಲಿ ಅನ್ಯ ಪ್ರಭಾವಕ್ಕಿಂತ ಪ್ರೇರಣೆಗಳನ್ನು ಮಾತ್ರ ನಾವು ಕಾಣುತ್ತೇವೆ. ಆದ್ದರಿಂದ ಅಂಬೇಡ್ಕರ್ ಅವರು ರೂಪಿಸಿದ ಮರುರಚನೆಯ (ರೀಕನ್ಸ್ಟ್ರಕ್ಸನ್) ಮಾದರಿಗಳು ಕೇವಲ ತೆರಪುಗಳನ್ನು ತುಂಬುವ ರಚನೆಗಳಾಗದೆ, ವರ್ತಮಾನದ ಬಿಕ್ಕಟ್ಟುಗಳಿಗೆ ಇವುಗಳು ಹೇಗೆ ಕಾರಣವಾಗಿರುತ್ತವೆ ಹಾಗೂ ಇವುಗಳಿಗೆ ಉತ್ತರಗಳನ್ನು ಕಂಡುಕೊಳ್ಳುವ ಬಗೆಗಳಾವುವು ಎಂಬೆಲ್ಲ ಸಂಗತಿಗಳನ್ನು ಕುರಿತು ಅತ್ಯಂತ ವಸ್ತುನಿಷ್ಠ ವಿಶ್ಲೇಷಣೆಗಳನ್ನು ತಮ್ಮ ಬರಹಗಳಲ್ಲಿ ಮಾಡಿರುತ್ತಾರೆ.

ಅಂಬೇಡ್ಕರ್ ಅವರಿಗಿಂತ ಮೊದಲು ಇಂತಹದೊಂದು ನೋಟಕ್ರಮಕ್ಕೆ ಚಾಲನೆಯನ್ನು ಕೊಟ್ಟವರು ಜ್ಯೋತಿರಾವ್ ಫುಲೆಯವರು. ಆದರೆ ಇವರಿಬ್ಬರ ತಿಳಿವಳಿಕೆಗಳನ್ನು ಹೋಲಿಸಿ ನೋಡುವ ಉದ್ದೇಶಕ್ಕಿಂತ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳು ಬೆಳೆಯುವುದಕ್ಕೆ ಬೇಕಾಗಿರುವ ಚಾರಿತ್ರಿಕ ಒತ್ತಡಗಳು ಹೇಗಿರುತ್ತವೆ ಎಂಬ ದಿಟವನ್ನು ಅರಿಯುವುದಕ್ಕೆ, ಫುಲೆಯವರ ಚಿಂತನೆಗಳನ್ನು ಇಲ್ಲಿ ಚರ್ಚಿಸಲಾಗಿದೆ. ಹಾಗೂ ಭಾರತದ ಸನ್ನಿವೇಶದಲ್ಲಿ ಚರಿತ್ರೆ ಕಥನಶಾಸ್ತ್ರಗಳ ವಿಭಿನ್ನ ಸ್ವರೂಪವನ್ನೂ ಈ ಮೂಲಕ ಅರಿಯಬಹುದಾಗಿದೆ. ಜ್ಞಾನಶಿಸ್ತುಗಳನ್ನು ರೂಪಿಸುವ ಪ್ರಕ್ರಿಯೆಯ ಭಾಗವಾಗಿ ಈ ಹಾದಿಯನ್ನು ಕರ್ನಾಟಕದ ವಿದ್ವತ್ ಲೋಕದಲ್ಲಿ ಇಡೀಯಾಗಿ ಅನುಸರಿಸುವುದನ್ನು ನಾನು ಕಾಣಲಾರೆ.

ಅಂದರೆ ಯಾರೂ ಈ ಹಾದಿಯನ್ನು ತುಳಿಯುತ್ತಿಲ್ಲವೆಂದು ಅರ್ಥವಲ್ಲ. ಬದಲಾಗಿ ಇದುವೇ ಮುಖ್ಯಧಾರೆ ಚಿಂತನೆಯ ಕ್ರಮವಾಗಿ ಭಾರತ ಇಲ್ಲವೇ ಕರ್ನಾಟಕದಲ್ಲಿ ಇನ್ನೂ ಬೆಳೆದಿಲ್ಲವೆಂದರ್ಥ. ಆದರೆ ಅಂಬೇಡ್ಕರ್ ಚಿಂತನೆಯ ಮಾದರಿಯೆಂಬುದನ್ನು ಕೇವಲ ಪರ್ಯಾಯ ಆಲೋಚನೆಯ ಕ್ರಮವನ್ನಾಗಿ ಮಾತ್ರ ನೋಡಲಾಗಿದೆ. ಈ ನಿಲುವು ಸರಿಯಲ್ಲ. ಏಕೆಂದರೆ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳೇ ನಮ್ಮ ಮುಖ್ಯಧಾರೆಯ ಆಲೋಚನೆಯ ಕ್ರಮಗಳಾಗಬೇಕಾದ ತುರ್ತು ಇದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

ಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ

Published

on

~ಗೋವರ್ಧನ ನವಿಲೇಹಾಳು 

ಮಧ್ಯ ಕರ್ನಾಟಕದ ಹೃದಯಭಾಗವಾದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಈಗ ಉಪಚುನಾವಣೆಯ ಕಾವು‌ ಏರುತ್ತಲೇ ಇದೆ. ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದಾಗಿ ಖಾಲಿಯಾದ ಈ ಕ್ಷೇತ್ರದಲ್ಲಿ ಏಪ್ರಿಲ್ 9, 2026ರಂದು ಮತದಾನ ನಡೆಯಲಿದೆ. ಫಲಿತಾಂಶ ಮೇ 4ರಂದು ಪ್ರಕಟವಾಗಲಿದೆ. ಈ ಉಪಚುನಾವಣೆಯು ಕೇವಲ ಒಂದು ಸೀಟಿನ ಹೋರಾಟವಲ್ಲ; ಇದು ಕರ್ನಾಟಕ ರಾಜಕೀಯದಲ್ಲಿ ಪ್ರತಿಷ್ಠೆ, ಕುಟುಂಬ ವಾರಸುದಾರಿಕೆ, ಸಮುದಾಯ ಸಮೀಕರಣಗಳು ಮತ್ತು ಅಭಿವೃದ್ಧಿ ನಿರೀಕ್ಷೆಗಳ ನಡುವಿನ ಸಂಕೀರ್ಣ ಸಮರವಾಗಿದೆ.

ಶಾಮನೂರು ಶಿವಶಂಕರಪ್ಪ ಅವರು ತಾನು ಸ್ಪರ್ಧಿಸಿದ ಈ ಕ್ಷೇತ್ರವನ್ನು ಎಂದೂ ಸೋಲದೆ ಉಳಿಸಿಕೊಂಡಿದ್ದರು. ಅವರ ನಂತರ ಕಾಂಗ್ರೆಸ್ ಪಕ್ಷವು ಅವರ ಮೊಮ್ಮಗ ಸಮರ್ಥ್ ಶಾಮನೂರು ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ಇದು ಕಾಂಗ್ರೆಸ್ ಹೇಳುವಂತೆ “ಕುಟುಂಬಕ್ಕೆ ಟಿಕೆಟ್ ನೀಡುವ ಸಾಂಪ್ರದಾಯಿಕ ನಡೆ”ಯಾಗಿದೆ. ಬಿಜೆಪಿ ಪಕ್ಷವು ಶ್ರೀನಿವಾಸ್ ಟಿ. ದಾಸಕರಿಯಪ್ಪ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದೆ. ಇದರ ಜೊತೆಗೆ SDPIಯ ಅಫ್ಸರ್ ಕೊಡ್ಲಿಪೇಟೆ, ಸಾದಿಕ್ ಪೈಲ್ವಾನ್ ಸೇರಿದಂತೆ 25 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಆದರೆ ಮುಖ್ಯ ಹೋರಾಟ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆಯೇ ಇದೆ .

ಈ ಉಪಚುನಾವಣೆಯಲ್ಲಿ ಮುಸ್ಲಿಂ ಸಮುದಾಯದ ಪಾತ್ರ ನಿರ್ಣಾಯಕವಾಗಿದೆ. ಕ್ಷೇತ್ರದಲ್ಲಿ ಮುಸ್ಲಿಂ ಮತದಾರರ ಸಂಖ್ಯೆ ಸುಮಾರು 40% ಇದೆ ಎಂದು ಅಂದಾಜು. ಶಾಮನೂರು ಕುಟುಂಬಕ್ಕೆ ಐತಿಹಾಸಿಕ ಬೆಂಬಲವಿದ್ದರೂ, ಈ ಬಾರಿ ಮುಸ್ಲಿಂ ನಾಯಕರು ಟಿಕೆಟ್ ಆಕಾಂಕ್ಷೆಯನ್ನು ವ್ಯಕ್ತಪಡಿಸಿದ್ದರು. ಕಾಂಗ್ರೆಸ್ ಪಕ್ಷವು ಕುಟುಂಬ ವಾರಸುದಾರಿಕೆಯನ್ನು ಆಯ್ಕೆ ಮಾಡಿದ್ದಕ್ಕೆ ಅಸಮಾಧಾನ ವ್ಯಕ್ತವಾಗಿದೆ. ಸಚಿವ ಜಮೀರ್ ಅಹಮದ್ ಅವರ ಪ್ರಚಾರ ಮತ್ತು ಸಿಎಂ ಸಿದ್ದರಾಮಯ್ಯ ಅವರ ಭೇಟಿಗಳು ಈ ಅಸಮಾಧಾನವನ್ನು ತಣಿಸುವ ಪ್ರಯತ್ನವಾಗಿದೆ. ಆದರೆ ಮುಸ್ಲಿಂ ಮತಗಳ ವಿಭಜನೆಯ ಸಾಧ್ಯತೆ ಇದೆ. SDPI ಮತ್ತು ಇತರ (ಕಾಂಗ್ರೆಸ್ ಸಾದಿಕ್ ಅವರನ್ನು ಪೈಲ್ವಾನ್ ತಟಸ್ಥರಾಗಿರುವಂತೆ ಹೇಳಿದೆ) ಮುಸ್ಲಿಂ ಅಭ್ಯರ್ಥಿಗಳು ಈ ವಿಭಜನೆಯನ್ನು ಹೆಚ್ಚಿಸುವ ಸಾಧ್ಯತೆಯಿದೆ. ಬಿಜೆಪಿ ಎಸ್‌ಟಿ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಅಹಿಂದ ಮತಗಳನ್ನು ಸೆಳೆಯುವ ತಂತ್ರ ರೂಪಿಸಿದೆ.

ಕಾಂಗ್ರೆಸ್ ಪಕ್ಷಕ್ಕೆ ಈ ಉಪಚುನಾವಣೆ ಪ್ರತಿಷ್ಠೆಯ ವಿಷಯವಾಗಿದೆ. ರಾಜ್ಯದಲ್ಲಿ ಆಡಳಿತಾರೂಢ ಪಕ್ಷವಾಗಿ ತನ್ನ ಬಲವನ್ನು ಉಳಿಸಿಕೊಳ್ಳುವುದು ಅತ್ಯಗತ್ಯ. ಸಿಎಂ ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ದಾವಣಗೆರೆ ದಕ್ಷಿಣಕ್ಕೆ 100 ಕೋಟಿ ರೂಪಾಯಿ ಅನುದಾನ ಘೋಷಿಸಿದ್ದು, ಇದು ಉಪಚುನಾವಣೆಗೆ ಮುನ್ನ ಜನರನ್ನು ಆಕರ್ಷಿಸುವ ಪ್ರಯತ್ನವಾಗಿ ಕಾಣುತ್ತಿದೆ. ಅನುಕಂಪದ ಅಲೆಯೂ ಕಾಂಗ್ರೆಸ್‌ಗೆ ಬೆಂಬಲ ನೀಡುವ ಸಾಧ್ಯತೆಯಿದೆ. ಆದರೆ ಪಕ್ಷದಲ್ಲಿ ಬಂಡಾಯದ ಬಿಸಿ ತಟ್ಟಿದೆ. ಕಾಂಗ್ರೆಸ್ ನ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಅವರನ್ನು ಪಕ್ಷ ಚುನಾವಣೆಯಲ್ಲಿ ತಟಸ್ಥರಾಗಿರುವಂತೆ ಹೇಳಿದೆ. ಆದರೆ ಇದು ಮುಸಲ್ಮಾನರ ಒಳಮುನಿಸನ್ನು ತಣಿಸುತ್ತದೆಯೇ ಅಥವಾ ಮತ ವಿಭಜನೆಗೆ ಕಾರಣವಾಗುತ್ತದೆಯೇ ಎಂಬುದು ಫಲಿತಾಂಶದ ಮೇಲೆ ಪರಿಣಾಮವನ್ನಂತೂ ಬೀರುತ್ತದೆ.

ಬಿಜೆಪಿ ಪಕ್ಷಕ್ಕೆ ಇದು ನೈತಿಕ ಸ್ಥೈರ್ಯವನ್ನು ಹೆಚ್ಚಿಸುವ ಅವಕಾಶ. 2023ರ ವಿಧಾನಸಭಾ ಚುನಾವಣೆಯಲ್ಲಿ ಶಾಮನೂರು ಶಿವಶಂಕರಪ್ಪ ಅವರು ಬಿಜೆಪಿ ಅಭ್ಯರ್ಥಿ ಅಜಯ್ ಕುಮಾರ್ ಅವರನ್ನು ಸುಮಾರು 27,888 ಮತಗಳ ಅಂತರದಿಂದ ಸೋಲಿಸಿದ್ದರು. ಈ ಬಾರಿ ಬಿಜೆಪಿ “ಬದಲಾವಣೆ”ಯ ಸಂದೇಶವನ್ನು ನೀಡುತ್ತಿದೆ. ಅಭಿವೃದ್ಧಿ ಕೊರತೆ, ಗ್ಯಾರಂಟಿ ಯೋಜನೆಗಳ ವೆಚ್ಚ ಮತ್ತು ಸರ್ಕಾರದ ನೀತಿಗಳ ವಿರುದ್ಧ ವಾಗ್ದಾಳಿ ನಡೆಸುತ್ತಿದೆ. ಶ್ರೀನಿವಾಸ್ ದಾಸಕರಿಯಪ್ಪ ಅವರು ಕುಟುಂಬ ರಾಜಕಾರಣಕ್ಕೆ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ. ಆದರೆ ಬಿಜೆಪಿಗೆ ಕ್ಷೇತ್ರದಲ್ಲಿ ಐತಿಹಾಸಿಕ ಬೆಂಬಲ ಕಡಿಮೆ. ಮುಸ್ಲಿಂ ಮತ್ತು ಅಹಿಂದ ಮತಗಳನ್ನು ತನ್ನತ್ತ ಸೆಳೆಯುವುದು ಅವರ ದೊಡ್ಡ ಸವಾಲು.

ದಾವಣಗೆರೆ ದಕ್ಷಿಣ ಕ್ಷೇತ್ರವು ಕೈಗಾರಿಕೆ, ವ್ಯಾಪಾರ ಮತ್ತು ಕೃಷಿಯ ಸಮ್ಮಿಶ್ರಣವಾಗಿದೆ. ರಸ್ತೆಗಳು, ನೀರಾವರಿ, ಉದ್ಯೋಗ, ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳು ಜನರ ಮುಖ್ಯ ನಿರೀಕ್ಷೆಗಳು. ಹಿರಿಯ ಶಾಸಕರ ಕಾಲದಲ್ಲಿ ಕ್ಷೇತ್ರಕ್ಕೆ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದ್ದವು. ಆದರೆ ಇಂದು ಯುವಕರ ಉದ್ಯೋಗ, ಮಹಿಳೆಯರ ಸುರಕ್ಷತೆ ಮತ್ತು ಸ್ಥಳೀಯ ಸಮಸ್ಯೆಗಳು ಬಗೆಹರಿಯಬೇಕಿದೆ. ಉಪಚುನಾವಣೆಯಲ್ಲಿ ಅಭ್ಯರ್ಥಿಗಳು ಭರವಸೆಗಳ ಮಳೆ ಸುರಿಸುತ್ತಿದ್ದಾರೆ. ಆದರೆ ಜನರು ನೋಡುವುದು ಕಾರ್ಯನಿರ್ವಹಣೆಯನ್ನು. 100 ಕೋಟಿ ಅನುದಾನ ಘೋಷಣೆಯಂತಹ ಕ್ರಮಗಳು ತಾತ್ಕಾಲಿಕ ಆಕರ್ಷಣೆಯಾಗಬಹುದು, ಆದರೆ ಸುಸ್ಥಿರ ಅಭಿವೃದ್ಧಿ ಅಗತ್ಯ.

ರಾಜಕೀಯವು ಜನಸೇವೆಗಾಗಿ ಇರಬೇಕು, ಅಧಿಕಾರಕ್ಕಾಗಿ ಅಲ್ಲ ಎಂಬುದು ಎಲ್ಲರೂ ಹೇಳುವ ಮಾತು. ಆದರೆ ವಾಸ್ತವದಲ್ಲಿ ಕುಟುಂಬ ರಾಜಕಾರಣ, ಜಾತಿ-ಸಮುದಾಯ ಲೆಕ್ಕಾಚಾರಗಳು ಪ್ರಬಲವಾಗಿವೆ. ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬದ ವರ್ಚಸ್ಸು ದೀರ್ಘಕಾಲದ್ದು. ಇದು ಜನಸೇವೆಯ ಫಲವೋ ಅಥವಾ ವ್ಯವಸ್ಥೆಯ ದೌರ್ಬಲ್ಯವೋ ಎಂಬುದನ್ನು ಜನರು ನಿರ್ಧರಿಸಬೇಕು. ಬಿಜೆಪಿ “ಬದಲಾವಣೆ”ಯ ಸಂದೇಶ ನೀಡುತ್ತಿದ್ದರೂ, ಅದು ಕೇವಲ ವಿರೋಧ ಪಕ್ಷದ ಧ್ವನಿಯಾಗಿ ಉಳಿಯದೆ ಸಕಾರಾತ್ಮಕ ಪರ್ಯಾಯವಾಗಬೇಕು.

ಈ ಉಪಚುನಾವಣೆಯಲ್ಲಿ ಮತದಾರರ ಜವಾಬ್ದಾರಿ ದೊಡ್ಡದು. ಅನುಕಂಪ, ಕುಟುಂಬ ನಿಷ್ಠೆ ಅಥವಾ ಸಮುದಾಯ ಲೆಕ್ಕಾಚಾರಕ್ಕಿಂತ ಹೆಚ್ಚಾಗಿ ಅಭಿವೃದ್ಧಿ, ಪಾರದರ್ಶಕತೆ ಮತ್ತು ಜನೋಪಯೋಗಿ ಕಾರ್ಯಗಳನ್ನು ಆಧರಿಸಿ ಮತ ನೀಡಬೇಕು. ಯುವಕರು ಮತ್ತು ಮಹಿಳೆಯರು ಹೆಚ್ಚು ಸಕ್ರಿಯರಾಗಬೇಕು. ಮತದಾನ ಶೇಕಡಾ 80ಕ್ಕಿಂತ ಹೆಚ್ಚು ಆಗುವಂತೆ ಮಾಡುವುದು ಪ್ರಜಾಪ್ರಭುತ್ವದ ಆರೋಗ್ಯಕ್ಕೆ ಸೂಚಕ.

ಕರ್ನಾಟಕ ರಾಜಕೀಯದಲ್ಲಿ ಉಪಚುನಾವಣೆಗಳು ಸಣ್ಣ ಪರೀಕ್ಷೆಗಳು. ದಾವಣಗೆರೆ ದಕ್ಷಿಣದ ಫಲಿತಾಂಶವು 2028ರ ವಿಧಾನಸಭಾ ಚುನಾವಣೆಗೆ ಸಂದೇಶ ನೀಡುತ್ತದೆ. ಕಾಂಗ್ರೆಸ್ ಗೆದ್ದರೆ ಅದು ತನ್ನ ಬಲವನ್ನು ಮತ್ತಷ್ಟು ಭದ್ರಪಡಿಸಿಕೊಳ್ಳುತ್ತದೆ. ಬಿಜೆಪಿ ಗೆದ್ದರೆ ಅದು ವಿರೋಧ ಪಕ್ಷವಾಗಿ ತನ್ನ ಸಾಮರ್ಥ್ಯವನ್ನು ತೋರಿಸುತ್ತದೆ. ಆದರೆ ಗೆಲುವು ಯಾರದ್ದಾದರೂ, ಜಯಿಸುವುದು ದಾವಣಗೆರೆ ದಕ್ಷಿಣದ ಜನರೇ ಆಗಬೇಕು.

ಈ ಹೋರಾಟದಲ್ಲಿ ರಾಜಕೀಯ ಪಕ್ಷಗಳು ಜನರ ಸಮಸ್ಯೆಗಳನ್ನು ಕೇಂದ್ರದಲ್ಲಿ ಇರಿಸಿಕೊಂಡು ಪ್ರಚಾರ ಮಾಡಲಿ. ಮತದಾರರು ತಮ್ಮ ಧ್ವನಿಯನ್ನು ಸ್ಪಷ್ಟವಾಗಿ ಮತ್ತು ನಿರ್ಭಯವಾಗಿ ವ್ಯಕ್ತಪಡಿಸಲಿ. ದಾವಣಗೆರೆ ದಕ್ಷಿಣ ಉಪಚುನಾವಣೆಯು ಪ್ರಜಾಪ್ರಭುತ್ವದ ಸೌಂದರ್ಯವನ್ನು ಪ್ರದರ್ಶಿಸುವ ಅವಕಾಶವಾಗಲಿ. ಅಭಿವೃದ್ಧಿ, ಸಮಾನತೆ ಮತ್ತು ಪಾರದರ್ಶಕ ಆಡಳಿತದತ್ತ ಕ್ಷೇತ್ರ ಸಾಗಲಿ ಎಂಬುದೇ ನಮ್ಮ ಆಶಯ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ದಿನದ ಸುದ್ದಿ

ತತ್ವಪದಗಳು ಸಾರ್ವಕಾಲಿಕ ಬೆಳಕನಿಧಿ: ಕಾ.ತ.ಚಿಕ್ಕಣ್ಣ

Published

on

ಸುದ್ದಿದಿನ,ಬೆಂಗಳೂರು:ತತ್ವಪದಗಳು ಎಲ್ಲ ಕಾಲಕ್ಕೂ ಸಲ್ಲುವಂತಹ ಬೆಳಕನ್ನು ನೀಡುವ ಸೃಜನಶೀಲ ಸಂರಚನೆಗಳಾಗಿವೆ ಎಂದು ಕರ್ನಾಟಕ ಸರ್ಕಾರದ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಅಧ್ಯಕ್ಷರಾದ ಶ್ರೀ ಕಾ.ತ.ಚಿಕ್ಕಣ್ಣ ಅವರು ಅಭಿಪ್ರಾಯಪಟ್ಟರು.

ಬೆಂಗಳೂರಿನ ಕೆ.ನಾರಾಯಣಪುರದ ಕ್ರಿಸ್ತು ಜಯಂತಿ ಡೀಮ್ಡ್ ವಿಶ್ವವಿದ್ಯಾನಿಲಯದ ಕನ್ನಡ ವಿಭಾಗ ಹಾಗೂ ಕರ್ನಾಟಕ ಸರ್ಕಾರದ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಕನ್ನಡ ತತ್ವಪದ ಸಾಹಿತ್ಯ: ಸಾಂಸ್ಕೃತಿಕ ಅನುಸಂಧಾನ’ ವಿಷಯ ಕುರಿತಾದ ಒಂದು ದಿನದ ರಾಷ್ಟ್ರೀಯ ವಿಚಾರಸಂಕಿರಣದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ ತತ್ವಪದ ಸಾಹಿತ್ಯ ರೂಪುಗೊಂಡಿದ್ದ ಕಾಲವನ್ನು ಕತ್ತಲಯುಗ ಎಂದು ಕರೆದು ವಿಸ್ಮೃತಿಗೆ ತಳ್ಳಲಾಗಿತ್ತು. ಆದರೆ ಆ ಕತ್ತಲೆಯುಗದಲ್ಲಿಯೇ ಜಗತ್ತಿಗೆ ಮಹೋನ್ನತ ಬೆಳಕು ನೀಡುವ ನುಡಿರತ್ನಗಳು ರಚನೆಗೊಂಡಿದ್ದವು. ತತ್ವಪದಕಾರರು ಪರಂಪರೆಯೊಂದಿಗೆ ಸಂವಾದ ನಡೆಸುತ್ತಾ ವರ್ತಮಾನಕ್ಕೆ ಸೂಕ್ತವಾಗಿ ಅನ್ವಯವಾಗುವ ಹಾಗೂ ಭವಿಷ್ಯಕ್ಕೆ ಬೇಕಾದ ಜಾಗೃತಿಯನ್ನು ನೀಡುವ ಮೂಲಕ ಕನ್ನಡ ಸಂಸ್ಕೃತಿಯಲ್ಲಿ ತಮ್ಮದೇ ಆದ ಮೌಲ್ಯಯುತ ಸ್ಥಾನವನ್ನು ಪಡೆದುಕೊಂಡಿವೆ. ಸಮಾಜದಲ್ಲಿರುವ ಜಾತಿಭೇದ, ಲಿಂಗಭೇದ, ವರ್ಣಭೇದ ಮೊದಲಾದ ವಿಷಕಾರಿ ಮನಸ್ಥಿತಿಗೆ ತತ್ವಪದಕಾರರು ತಮ್ಮ ನುಡಿ-ನಡೆಗಳ ಮೂಲಕ ಚಿಕಿತ್ಸೆ ನೀಡುವ ಮೂಲಕ ಬದುಕಿನ ಸತ್ಯ ಮತ್ತು ಸಾರ್ಥಕತೆಯನ್ನು ಸಾಧಿಸಿತೋರಿದ್ದಾರೆ ಎಂದು ತಿಳಿಸಿದರು.

ವಿಶ್ವಾತ್ಮಕವಾದ ಸಂವೇದನೆಯ ತತ್ವಪದ ಸಾಹಿತ್ಯ

ವಿಚಾರಸಂಕಿರಣವನ್ನು ಉದ್ಘಾಟನೆ ಮಾಡಿದ ಕ್ರಿಸ್ತು ಜಯಂತಿ ವಿವಿಯ ಸಂಸೋಧನೆ ಮತ್ತು ಅಭಿವೃದ್ಧಿ ವಿಭಾಗದ ನಿರ್ದೇಶಕರಾದ ಫಾ.ಡಾ.ಮರಿಯಾಲಾಲ್ ಜೋಸೆಫ್ ಅವರು, ಕನ್ನಡದ ತತ್ವಪದಗಳು ಜನಸಾಮಾನ್ಯರ ವೇದಗಳಾಗಿವೆ. ಕನ್ನಡ ಸಾಹಿತ್ಯಕ್ಕೆ ಸಂಗೀತಾತ್ಮಕ ಶಾಸ್ತ್ರೀಯ ಸಂರಚನೆಯ ಜೊತೆಗೆ ವಿಶ್ವಾತ್ಮಕವಾದ ಸಂವೇದನೆಯ ಮೂಲಕ ಮಹತ್ತರವಾದ ಕೊಡುಗೆ ನೀಡಿದ್ದು ತತ್ವಪದ ಸಾಹಿತ್ಯ.

ಮಧ್ಯಯುಗೀನ ಕಾಲದ ಭಕ್ತಿಚಳವಳಿಯ ಭಾಗವಾಗಿ ಮೂಡಿಬಂದ ವಚನ ಸಾಹಿತ್ಯ ಹಾಗೂ ಕೀರ್ತನ ಸಾಹಿತ್ಯಗಳು ಕರ್ನಾಟಕದಲ್ಲಿ ಮೂಡಿಸಿದ ಸಾಂಸ್ಕೃತಿಕ ಚೈತನ್ಯಶೀಲತೆಯನ್ನು ನಂತರದಲ್ಲಿ ಮುಂದುವರೆಸುವ ಮೂಲಕ ಮತ್ತಷ್ಟು ಎತ್ತರಕ್ಕೆ ಕೊಂಡೊಯ್ದದ್ದು ತತ್ವಪದ ಸಾಹಿತ್ಯವಾಗಿದೆ. ಇಂದಿನ ಆವೇಗದ ಆಧುನಿಕ ಜಗತ್ತಿಗೆ ತತ್ವಪದಕಾರರು ನೀಡಿದ ಅರಿವಿನ ಬೆಳಕು ಅತ್ಯಗತ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.

ನಿಜತ್ವ ಬೆಳಗುವ ದಾರಿದೀಪ ತತ್ವಪದಗಳು-ಪದ್ಮಾಲಯ ನಾಗರಾಜ್: ಪ್ರಧಾನಗೋಷ್ಠಿಯ ಅಧ್ಯಕ್ಷತೆ ವಹಿಸಿ ತತ್ವಪದಗಳ ಸಾಂಸ್ಕೃತಿಕ ಮಹತ್ವ ಕುರಿತು ಮಾತನಾಡಿದ ಅಚಲ ಸಾಧಕರಾದ ಪದ್ಮಾಲಯ ನಾಗರಾಜ್ ಅವರು, ಜಗತ್ತಿನಾದ್ಯಂತ ಇಂದು ನಡೆಯುತ್ತಿರುವ ಅಧಿಕಾರ ಹಾಗೂ ವ್ಯಾಪಾರದಾಹೀ ರಾಜಕೀಯ ಲಂಪಟ, ಆರ್ಥಿಕ ಲಂಪಟ ಹಾಗೂ ಸಾಮಾಜಿಕ ಅಸಮಾನ ಸೃಷ್ಟಿಗಳು ಮಾನವಲೋಕವನ್ನು ಭ್ರಮೆ ಮತ್ತು ಅಸತ್ಯದತ್ತ ಕೊಂಡೊಯ್ಯುತ್ತಿವೆ. ಅವೈಜ್ಞಾನಿಕ ಕಲ್ಪನೆಗಳನ್ನು ಹುಟ್ಟುಹಾಕುತ್ತಾ ವಾಸ್ತವಿಕತೆಯಿಂದ ದೂರಮಾಡುತ್ತಿವೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ನಿರಂತರ ಆಗುವಿಕೆಯ ಅನಂತವಿಶ್ವದಲ್ಲಿ ನಾವೊಂದು ಬಿಂದುವೆಂಬ ಸತ್ಯದರ್ಶನ ಮಾಡಿಸುವ ಮೂಲಕ ನಿಜತ್ವವನ್ನು ಬೆಳಗುವ ದಾರದೀಪವಾಗಿವೆ ತತ್ವಪದಗಳು ಎಂದು ತಿಳಿಸಿದರು.

‘ತತ್ವಪದಕಾರ್ತಿಯರ ಲೋಕದೃಷ್ಠಿ’ಯನ್ನು ಕುರಿತು ವಿಚಾರಮಂಡನೆ ಮಾಡಿದ ಡಾ.ಶೋಭಾರಾಣಿ ಎನ್. ಅವರು, ‘ತತ್ವಪದಕಾರ್ತಿಯರು ಸಂಸಾರದ ಸಹಯಾನದೊಂದಿಗೇ ಅಧ್ಯಾತ್ಮಿಕ ಸಾಧನೆಯನ್ನು ಮಾಡಬಹುದೆಂದು ಸಾಧಿಸಿತೋರಿದ್ದಾರೆ. ನಿರ್ಭೀತ ನುಡಿಕಾರರು ತತ್ವಪದಕಾರ್ತಿಯರು. ಮಹಿಳಾ ತತ್ವಪದಕಾರರ ಇನ್ನೂ ಎಷ್ಟೋ ತತ್ವಪದಗಳು ಸಂಗ್ರಹವಾಗಬೇಕಿದೆ’ ಎಂದು ಅಭಿಪ್ರಯಪಟ್ಟರು.

‘ಕನ್ನಡ ತತ್ವಪದಗಳು ಮತ್ತು ಬಹುತ್ವ ಭಾರತ’ ಕುರಿತು ಮಾತನಾಡಿದ ರವಿ ಕಂಬಳಿ ಅವರು, ಬಹುಸಂಸ್ಕೃತಿಗಳಿರುವ ಭಾರತದಲ್ಲಿ ಏಕರೂಪೀತನದ ಯಾಜಮಾನ್ಯ ಹೇರುವ ದೌರ್ಜನ್ಯ ಹಾಗೂ ಸಮಸ್ಯೆಗಳಿಗೆ ಪ್ರತಿಕ್ರಿಯೆಯಾಗಿ ಕನ್ನಡ ತತ್ವಪದಕಾರರು ಬಹುತ್ವವನ್ನು ತಮ್ಮ ಸಾಹಿತ್ಯದ ಆಶಯ ಹಾಗೂ ಬದುಕಿನ ಆಚರಣೆಯನ್ನಾಗಿ ಮಾಡಿಕೊಂಡರು. ಮೌಢ್ಯರಹಿತವಾದ ಸಮಸಮಾಜ ಕಲ್ಪನೆ ಅವರದಾಗಿತ್ತು. ತಮಗಿಂತಲೂ ಹಿಂದೆ ಹಲವು ಬಗೆಯ ಬಹುತ್ವದ ಮಾದರಿಗಳನ್ನು ಪ್ರತಿಪಾದಿಸಿದ್ದ ವಚನಕಾರರು ಇವರಿಗೆ ಆದರ್ಶವಾಗಿದ್ದರು ಎಂದು ತಿಳಿಸಿದರು.

ವಿಚಾರಸಂಕಿರಣದ ಭಾಗವಾಗಿ ಹೊರತರಲಾಗಿದ್ದ ‘ಕನ್ನಡ ತತ್ವಪದ ಸಾಹಿತ್ಯ

ಸಾಂಸ್ಕೃತಿಕ ಅನುಸಂಧಾನ-ಸಂಪುಟ 1 ಮತ್ತು 2’ ಕೃತಿಗಳನ್ನು ಲೋಕಾರ್ಪಣೆಗೊಳಿಸಲಾಯಿತು. ಪ್ರಸಿದ್ಧ ಗಾಯಕರಾದ ಶ್ರೀ ಖಾಸೀಂ ಮಲ್ಲಿಗೆ ಮಡುವು ತತ್ವಪದ ಗಾಯನವನ್ನು ಪ್ರಸ್ತುತಪಡಿಸಿದರು. ಪರ್ಯಾಯಗೋಷ್ಠಿಗಳಲ್ಲಿ 6೦ಕ್ಕೂ ಹೆಚ್ಚು ಸಂಶೋಧಕರು ಪ್ರಬಂಧ ಮಂಡನೆ ಮಾಡಿದರು.

ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದ ಮಾನವಿಕ ವಿಭಾಗದ ಡೀನರಾದ ಡಾ.ಗೋಪಕುಮಾರ್ ಎ.ವಿ. ಅವರು ಮುಖ್ಯ ಅತಿಥಿಯಾಗಿದ್ದರು. ಕನ್ನಡ ವಿಭಾಗದ ಮುಖ್ಯಸ್ಥರಾದ ಕ್ಯಾಪ್ಟನ್ ಡಾ.ಸರ್ವೇಶ್ ಬಿ.ಎಸ್. ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ವಿಚಾರಸಂಕಿರಣದ ಸಂಯೋಜಕರಾದ ಡಾ.ಕಿರಣಕುಮಾರ್ ಹೆಚ್.ಜಿ ಅವರು ವಂದಿಸಿದರು.

ಕನ್ನಡ ಪ್ರಾಧ್ಯಾಪಕರಾದ ಡಾ.ಕುಪ್ಪನಹಳ್ಳಿ ಎಂ.ಭೈರಪ್ಪ ಅವರು ನಿರೂಪಿಸಿದರು. ಕನ್ನಡ ಪ್ರಾಧ್ಯಾಪಕರಾದ ಪ್ರೊ.ಚಂದ್ರಶೇಖರ್ ಎನ್., ಡಾ.ಸೈಯದ್ ಮುಯಿನ್, ಡಾ.ರವಿಶಂಕರ್ ಎ.ಕೆ., ತತ್ವಪದಕಾರರ ಅಧ್ಯಯನ ಕೇಂದ್ರದ ಸಿಬ್ಬಂದಿವರ್ಗದವರಾದ ರಜತಾ ಶೆಟ್ಟಿ ಹಾಗೂ ಸುಪ್ರಿಯಾ ಅವರು ಉಪಸ್ಥಿತರಿದ್ದರು. 200ಕ್ಕೂ ಹೆಚ್ಚು ಅಧ್ಯಾಪಕರು, ಸಂಶೋಧಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ10 hours ago

ದಾವಣಗೆರೆ | ಕೆರೆಗಳ ಸಂರಕ್ಷಣೆ; ಒತ್ತುವರಿ ತೆರವಿಗೆ ಕಟ್ಟುನಿಟ್ಟಿನ ಕ್ರಮ : ಡಿಸಿ ಗಂಗಾಧರಸ್ವಾಮಿ ಜಿ.ಎಂ

ಸುದ್ದಿದಿನ,ದಾವಣಗೆರೆ:ಈ ವರ್ಷ ಬರಗಾಲದ ಲಕ್ಷಣಗಳಿರುವುದರಿಂದ ಜಲಚರಗಳ ರಕ್ಷಣೆ ಹಾಗೂ ಕುಡಿಯುವ ನೀರಿನ ಲಭ್ಯತೆಗೆ ಮೊದಲ ಆದ್ಯತೆ ನೀಡಬೇಕು. ಜಿಲ್ಲೆಯ ಕೆರೆಗಳಲ್ಲಿರುವ ನೀರಿನ ಪ್ರಮಾಣದ ಬಗ್ಗೆ ನಿಖರವಾದ ಅಧ್ಯಯನ...

ದಿನದ ಸುದ್ದಿ10 hours ago

ವಯೋವೃದ್ಧರ ಸಾಮಾಜಿಕ ಆರ್ಥಿಕ ಸ್ಥಿತಿಗತಿ ಅಧ್ಯಯನ

ಸುದ್ದಿದಿನ,ದಾವಣಗೆರೆ:ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ವಯೋವೃದ್ಧರ ಕುರಿತು ಬುಧವಾರ ಸಾಮಾಜಿಕ ಸಮೀಕ್ಷೆ ನಡೆಸಿದರು. ನಗರದ ತರಳಬಾಳು ಬಡಾವಣೆಯ ಆಯೂಷ್ ಚಾರಿಟೇಬಲ್ ಟ್ರಸ್ಟ್...

ದಿನದ ಸುದ್ದಿ2 days ago

ಸಮಾನತೆಯ ಸಮಾಜ ನಿರ್ಮಾಣಕ್ಕೆ ಸಂವಿಧಾನವೇ ಭದ್ರ ಬುನಾದಿ: ಗಂಗಾಧರಸ್ವಾಮಿ ಜಿ.ಎಂ

ಸುದ್ದಿದಿನ,ದಾವಣಗೆರೆ:ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ನೀಡಿದ ಸಂವಿಧಾನವು ದೇಶದ ಪ್ರತಿಯೊಬ್ಬ ನಾಗರಿಕನಿಗೂ ಸಮಾನತೆ ಮತ್ತು ಸ್ವಾತಂತ್ರ್ಯವನ್ನು ಕಲ್ಪಿಸಿಕೊಟ್ಟಿರುವ ಮಹಾನ್ ಶಕ್ತಿ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ...

ಅಂಕಣ2 days ago

ಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ

~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ ಅಂಬೇಡ್ಕರ್ ಅವರು ಭಾರತದ ಚರಿತ್ರೆಗಳ ರಚನೆಗೆ ಪ್ರಾಯೋಗಿಕ ಉಪಕರಣಗಳನ್ನು (ಎಂಪರಿಕಲ್ ಟೂಲ್ಸ್) ಬಳಸಿರುತ್ತಾರೆ. ಆದರೆ ಈ ಎಲ್ಲ ಉಪಕರಣಗಳು...

ದಿನದ ಸುದ್ದಿ3 days ago

ಅಂಧ ಮಕ್ಕಳ ವಸತಿ ಶಾಲೆಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿಗೆ ಅಂಧ ಮಕ್ಕಳ ಸರ್ಕಾರಿ ಪಾಠಶಾಲೆ 1 ನೇ ತರಗತಿ (6ವರ್ಷ) ಯಿಂದ 10ನೇ ತರಗತಿ (16ವರ್ಷ) ವರೆಗೆ ಅಂಧ ಹೆಣ್ಣು ಮತ್ತು ಗಂಡು ಮಕ್ಕಳಿಗೆ...

ದಿನದ ಸುದ್ದಿ3 days ago

ನಾಳೆ ಡಾ. ಬಿ.ಆರ್. ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆ

ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ, ಈ ವರ್ಷದ ಡಾ|| ಬಿ.ಆರ್. ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆಯನ್ನು ಅತ್ಯಂತ...

ದಿನದ ಸುದ್ದಿ3 days ago

ಚಿಕ್ಕಮಗಳೂರು | ನೂತನ ಭದ್ರಾ ಸೇತುವೆ ಲೋಕಾರ್ಪಣೆಗೊಳಿಸಿ

ಸುದ್ದಿದಿನ,ಚಿಕ್ಕಮಗಳೂರು:ಜಿಲ್ಲೆಯ ಎನ್‌ಆರ್ ಪುರದಲ್ಲಿ ಇಂದುಆಯೋಜಿಸಿದ್ದ ಕಾರ್ಯಕ್ರಮದಲ್ಲಿ “ಹಂದೂರು ಗ್ರಾಮದಿಂದ ಎನ್.ಆರ್.ಪುರಕ್ಕೆ ಸಂಪರ್ಕಿಸುವ ನೂತನ ಭದ್ರಾ ಸೇತುವೆಯನ್ನು ಲೋಕಾರ್ಪಣೆಗೊಳಿಸಿ, ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ,...

ದಿನದ ಸುದ್ದಿ5 days ago

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ಪ್ರಶ್ನಿಸಿಕೊಳ್ಳಬೇಕು : ಸಿಎಂ ಸಿದ್ದರಾಮಯ್ಯ

ಸುದ್ದಿದಿನಡೆಸ್ಕ್:ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು...

ದಿನದ ಸುದ್ದಿ6 days ago

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲೆಯ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆಯು ಒಟ್ಟಾರೆ ಶೇಕಡ 81.99 ರಷ್ಟು ಸಾಧನೆ ಮಾಡಿದ್ದು, ರಾಜ್ಯದಲ್ಲಿ 25 ನೇ ಸ್ಥಾನ ಪಡೆದಿದೆ....

ದಿನದ ಸುದ್ದಿ6 days ago

ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ

ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಇಂದು ನಡೆದ ಉಪ ಚುನಾವಣೆಯು ಅತ್ಯಂತ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಒಟ್ಟಾರೆ ಶೇ. 68.55ರಷ್ಟು ಮತದಾನ ದಾಖಲಾಗಿದೆ. ಬೆಳಿಗ್ಗೆಯಿಂದಲೇ ಮತಗಟ್ಟೆಗಳ ಮುಂದೆ ಮತದಾರರು...

Trending