ನೆಲದನಿ
ಕರ್ನಾಟಕವೆಂದರೆ ಕರುಣೆಯಿಲ್ಲವೇ..? ಕನ್ನಡವೆಂದರೆ ಹೆಮ್ಮೆಯಲ್ಲವೇ..?
“ಉದಯವಾಗಲಿ ಚಲುವ ಕನ್ನಡನಾಡು
ಬದುಕು ಬಲಹೀನ ನಿಧಿಯು ಸದಭಿಮಾನದ ಗೂಡು”
ಅಂದು 1924 ನೇ ಇಸವಿ ಬೆಳಗಾವಿಯಲ್ಲಿ ಗಾಂಧೀಜಿಯವರು ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದಲ್ಲಿ ಸಂಗೀತ ವಿದೂಷಿ ಗಂಗೂಬಾಯಿ ಹಾನಗಲ್ ರವರು ಬಾಲಕಿಯಾಗಿದ್ದಾಗ ಹಾಡಿದಂಥ ಹಾಡಿದು. ಇದನ್ನು ಹುಯಿಲಗೋಳ ನಾರಾಯಣರಾಯರು ಬರೆದಂಥ ರಾಷ್ಟ್ರಗೀತೆ. ಹೌದು ಅಂದಿನ ಕಾಲಕ್ಕೆ ಇದು ಕನ್ನಡ ಭಾಷೆಗೆ ರಾಷ್ಟ್ರಗೀತೆಯೇ ಸರಿ. ಮೊದಲಿನಿಂದಲೂ ಭಾಷಾತೀತ ರಾಷ್ಟವಾಗಿರುವ ಭಾರತದಲ್ಲಿ ಎರಡು ಸಾವಿರ ವರ್ಷಗಳ ಇತಿಹಾಸವಿರುವ ಕನ್ನಡವೂ ದ್ರಾವಿಡಭಾಷೆಗಳಲ್ಲಿ ಒಂದು. ಇಂಥಾ ಭಾಷಾಪ್ರೇಮ ಹೊತ್ತ ಹುಯಿಲಗೋಳ ನಾರಾಯಣರಾಯರು ಕನ್ನಡಕ್ಕಾಗಿಯೇ ಬರೆದಂಥ ಅದ್ಭುತ ಅರ್ಥಗಳುಳ್ಳ ಸಾಲಿನ ಪದಗಳು. ಸ್ವತಂತ್ರ ಪೂರ್ವದಲ್ಲೇ ಭಾಷಾಭಿಮಾನದಿಂದ ಒಗ್ಗೂಡುವ ಪ್ರಯತ್ನಕ್ಕೆ ನಾಂದಿಯಾಯಿತೇನೋ ಇವರ ಬರಹದ ಹಾಡು. ಹುಯಿಲಗೋಳ ನಾರಾಯಣರಾಯರು ಕನ್ನಡಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟವರು.
ಏಕೀಕರಣಗೊಂಡ ಕರ್ನಾಟಕ 60 ವಸಂತಗಳನ್ನ ಪೂರೈಸಿ ವಜ್ರಮಹೋತ್ಸವವನ್ನೂ ಆಚರಿಸಿಕೊಂಡಿದೆ. ಕನ್ನಡ ಭಾಷಿಕರು ವಾಸಿಸುವ ಬಹುತೇಕ ಪ್ರದೇಶಗಳೆಲ್ಲಾ ಪ್ರಥಮವಾಗಿ ಒಂದಾದ ಈ ಉತ್ಸವಕ್ಕೆ ಏನಿಲ್ಲವೆಂದರೂ ಒಂದೂವರೆ ಶತಮಾನದ ಹಿನ್ನೆಲೆ ಇದೆ. ಹಿಂದೆ ಒಂದು ಭೂಭಾಗಕ್ಕೆ ಕರ್ನಾಟಕವೆಂಬ ಹೆಸರು ಇರಲಿಲ್ಲ. ಕನ್ನಡ ಭಾಷೆ ಮಾತನಾಡುವ ಸ್ಥಳಗಳಲ್ಲಿ ಕನ್ನಡಿಗರೆ ಆಳ್ವಿಕೆ ನಡೆಸಿದರು. ಕದಂಬರು ಕನ್ನಡ ಮಾತೃಭಾಷೆಯ ರಾಜಮನೆತನಗಳಲ್ಲಿ ಮೊದಲಿಗರು. ಇವರ ಬಳಿಕ ಹಲವಾರು ರಾಜವಂಶಗಳು ನೂರಾರು ವರ್ಷಗಳ ಕಾಲ ವಿವಿಧ ಭಾಗಗಳಲ್ಲಿ ಆಡಳಿತ ನಡೆಸಿದರು. ಕನ್ನಡ ಭಾಷೆಗೆ ಆಗ ಮಾನ್ಯತೆ ಇತ್ತು.
ಬ್ರಿಟಿಷರು ಭಾರತಕ್ಕೆ ಬಂದು ಭಾರತವನ್ನೇ ತಮ್ಮ ಅಂಕೆಗೆ ತೆಗೆದುಕೊಳ್ಳಲು ಆರಂಭಿಸಿದರು. ಅನೇಕ ದೌರ್ಬಲ್ಯಗಳಿಂದ ನಮ್ಮ ನೂರೆಂಟು ಸಂಸ್ಥಾನಗಳು ಅವರ ವಶಕ್ಕೆ ಹೋದವು. ಬೆರಳೆನಿಕೆಯಷ್ಟು ರಾಜರು ಮಾತ್ರ ಬಿಳಿಯರ ವಿರುದ್ಧ ಸೆಟೆದು ನಿಂತರು. ಅಂಥವರಲ್ಲಿ ಮೈಸೂರು ಸಂಸ್ಥಾನದ ಟಿಪ್ಪು ಸುಲ್ತಾನ್ ಕೂಡ ಒಬ್ಬರು. ಕೊನೆಯ ಮೈಸೂರು ಯುದ್ಧದಲ್ಲಿ ಟಿಪ್ಪು ಸುಲ್ತಾನ್ ಪತನಗೊಂಡಿದ್ದು 1799ರಲ್ಲಿ. ಆ ಹೊತ್ತಿಗಾಗಲೇ ದೇಶದೆಲ್ಲೆಡೆ ಬ್ರಿಟಿಷರ ಆಡಳಿತ ಶುರುವಾಗಿತ್ತು. ಗೆದ್ದ ಪ್ರಾಂತ್ಯಗಳನ್ನೆಲ್ಲಾ ಅವರಿಷ್ಟಕ್ಕೆ ಬಂದಂತೆ ಹಂಚಿಕೆ ಮಾಡಲು ಆರಂಭಿಸಿದರು. ಇಂಥಹ ವಿಭಜನೆ ಒಳಪಟ್ಟವರಲ್ಲಿ ಕನ್ನಡಿಗರೂ ಸೇರಿದ್ದರು. ಕನ್ನಡ ಮಾತನಾಡುವ ಪ್ರದೇಶಗಳನ್ನು ಸುಮಾರು 20 ಕ್ಕೂ ಹೆಚ್ಚು ಭಾಗಗಳಾಗಿ ವಿಂಗಡಿಸಿದರು. ಕೆಲವು ಪ್ರದೇಶಗಳನ್ನು ತಾವೇ ಇಟ್ಟುಕೊಂಡರೆ ಇನ್ನೂ ಹಲವು ಪ್ರದೇಶಗಳನ್ನು ತಮಗೆ ಬೆಂಬಲಿಸುತ್ತಿದ್ದ ಸಂಸ್ಥಾನಗಳಿಗೆ ಬಿಟ್ಟುಕೊಟ್ಟರು. ದುರಾದೃಷ್ಟವೆಂದರೆ ಅವರು ಅನ್ಯ ಭಾಷಿಕರಾಗಿದ್ದರು. ಅವರ ಆಳ್ವಕೆಯಲ್ಲಿ ಕನ್ನಡ ಮಾತನಾಡುವವರು ಅಕ್ಷರಶಃ ಅನಾಥರಾದರು.
ಮರಾಠಿ, ಉರ್ದು, ತಮಿಳು, ತೆಲುಗು ಭಾಷಿಕರ ನಡುವೆ ಕನ್ನಡಿಗರು ಇರಲೇಬೇಕಾದ ಅನಿವಾರ್ಯ ಸಂದರ್ಭ ಸೃಷ್ಟಿಯಾಯಿತು. ಆಡಳಿತಗಾರರು ಕನ್ನಡಿಗರ ಆತಂಕ ದೂರ ಮಾಡುವ ಯಾವ ಕ್ರಮವನ್ನೂ ತೆಗೆದುಕೊಳ್ಳುತ್ತಿರಲಿಲ್ಲ. ನಮಗೆ ಅನ್ಯಾಯವಾಗುತ್ತಿದೆ, ನಮ್ಮ ಭಾಷೆಗೆ ತೊಂದರೆಯಾಗುತ್ತಿದೆ ಎಂದು ಒಗ್ಗಟ್ಟಾಗಿ ಹೇಳುವ ಪರಿಸ್ಥಿತಿಯೂ ಕನ್ನಡಿಗರಿಗೆ ಇರಲಿಲ್ಲ. ನಮ್ಮದೇ ನೆಲದಲ್ಲಿ ನಾವೇ ಅಲ್ಪ ಸಂಖ್ಯಾತರೆನ್ನಿಸಿಕೊಂಡು ಬವಣೆ ಪಡುವ ಗೋಳು ನಮ್ಮದಾಗಿತ್ತು. ಸಾವಿರಾರು ವರ್ಷಗಳಿಂದ ಉಳಿದುಕೊಂಡಿದ್ದ, ಕನ್ನಡಿಗರ ಸಂಸ್ಕೃತಿಗೆ ಧಕ್ಕೆ ಉಂಟಾಯಿತು. ಇಪ್ಪತ್ತಕ್ಕೂ ಹೆಚ್ಚು ದ್ವೀಪಗಳಾಗಿ ಹಂಚಿ ಹೋಗಿದ್ದ ಕನ್ನಡ ಮಾತನಾಡುವ ಪ್ರದೇಶಗಳಲ್ಲಿ ಕನ್ನಡತನ ಉಳಿಸಿ ಕೊಳ್ಳುವುದು ಅಸಾಧ್ಯವಾಗಿತ್ತು.ಅಚ್ಚ ಕನ್ನಡ ಮಾತನಾಡುವ ಪ್ರದೇಶಗಳಲ್ಲಿ ಅನ್ಯಭಾಷಿಕರು ಅವರ ಭಾಷೆಯನ್ನು ಸುಕಾ ಸುಮ್ಮನೆ ಹೇರುತ್ತಿದ್ದರು. ಆಡಳಿತ ಅವರ ಕೈಯಲ್ಲಿದ್ದರಿಂದ ಕನ್ನಡಿಗರು ಮಣಿಯಲೇಬೇಕಾದ ಅನಿವಾರ್ಯ ಸ್ಥಿತಿ ಅದು. ಭಾಷೆ ಕಳೆದುಕೊಳ್ಳುತ್ತಿರುವ ಭೀತಿ ಒಂದೆಡೆಯಾದರೆ ಅನ್ಯಭಾಷಿಕರ ದಬ್ಬಾಳಿಕೆಗೆ ಕನ್ನಡಿಗರು ಗುರಿಯಾದರು. ಇಂಥಹ ಯಾತನಾಮಯ ಪರಿಸ್ಥಿತಿಯಲ್ಲಿ ಸಾಂಸ್ಕೃತಿಕವಾಗಿ, ಪ್ರಾದೇಶಿಕವಾಗಿ ಕನ್ನಡಿಗರೆಲ್ಲಾ ಒಂದಾಗಬೇಕೆಂಬ ಕೂಗು ಎದ್ದಿತು. ತಾತ್ವಿಕ ತಳಹದಿಯ ಮೇಲೆ ಕನ್ನಡ ಸಂಸ್ಕೃತಿ-ಕನ್ನಡಿಗರು ಒಂದುಗೂಡಲು ಆರಂಭವಾದ ಆಂದೋಲನವೇ ಕನ್ನಡ ಏಕೀಕರಣ ಚಳುವಳಿ. ಕನ್ನಡಕ್ಕೆ, ಕನ್ನಡಿಗರಿಗೆ ನಾವೆಲ್ಲಾ ಒಂದಾಗಬೇಕೆಂದು ಮೊದ ಮೊದಲಿಗೆ ಪ್ರೇರಣೆ ಕೊಟ್ಟವರು ಅಭಿವ್ಯಕ್ತಿ ಮಾಡಲು ಅವಕಾಶವಿದ್ದ ಕವಿಗಳು, ಸಾಹಿತಿಗಳು, ಕಲಾವಿದರು.ಕಥೆ-ಕವನ-ಕಾದಂಬರಿ-ಚಿತ್ರ, ಬರಹಗಳಲ್ಲಿ ಕನ್ನಡತ್ವ ಕಾಣಿಸಿಕೊಳ್ಳತೊಡಗಿತು.
ಆ ಕಾಲಘಟ್ಟದಲ್ಲಿ ಕನ್ನಡಿಗರೆಲ್ಲರೂ ಒಂದಾಗಿ ಹೋರಾಟ ನಡೆಸುವ ವಾತಾವರಣ ಇರಲಿಲ್ಲ. ಇಂಗ್ಲೆಂಡ್ ನ ವ್ಯಾಪಾರಿ ಸಂಸ್ಥೆಯೊಂದು ಭಾರತದಲ್ಲಿ ಅಂದಾದುಂದಿ ಆಡಳಿತ ನಡೆಸುತ್ತಿತ್ತು. ಇದರಿಂದ ಇಂಗ್ಲೆಂಡ್ ನ ಪ್ರತಿಷ್ಟೆಗೆ ಪೆಟ್ಟು ಬಿದ್ದಾಗ ಸ್ವತಃ ಬ್ರಿಟನ್ ರಾಣಿಯೇ ಭಾರತದ ಆಡಳಿತವನ್ನು ನೇರವಾಗಿ ಕೈಗೆತ್ತಿಕೊಂಡರು. ಆಗ ಅಲ್ಲಿದ್ದ ಬಿಗಿವಾತಾವರಣ ಕಡಿಮೆಯಾಯಿತು. ಆಗ ಆಡಳಿತ ನಡೆಸಲು ಬಂದ ಕೆಲವು ಅಧಿಕಾರಿಗಳು ಕನ್ನಡಿಗರ ಪರಿಪಾಟಲುಗಳನ್ನ ನೋಡಿ ವಾಸ್ತವತೆ ಸ್ಥಿತಿಯನ್ನು ಮೇಲಾಧಿಕಾರಿಗಳಿಗೆ ವರದಿ ನೀಡಿದರು. ಆ ಸಮಯದಲ್ಲಿ ಕನ್ನಡಿಗರ ಬಗೆಗೆ ಸಹಾನುಭೂತಿ ಸಿಕ್ಕಿತು. ಆದರೆ ತಾವು ಇಷ್ಟೂ ವರ್ಷ ಕಳೆದುಕೊಂಡಿದ್ದನ್ನು ಮತ್ತೆ ಪಡೆಯಬೇಕಾದರೆ ಒಗ್ಗಟ್ಟಾಗಬೇಕೆಂಬ ಅಭಿಲಾಷೆ ಕನ್ನಡಿಗರಲ್ಲಿ ಮೂಡಿತು.ಅದಕ್ಕೆ ಬ್ರಿಟಿಷ್ ಅಧಿಕಾರಿಗಳು-ಸಂಶೋಧಕರು ಬೆಂಬಲ ಕೊಟ್ಟರು. ಕೇವಲ ಅನುಕೂಲಕ್ಕೆ ತಕ್ಕಂತೆ ಪ್ರದೇಶಗಳನ್ನು ತುಂಡು ತುಂಡು ಮಾಡಿದ್ದ ಬ್ರಿಟಿಷ್ ಸರ್ಕಾರದ ನೀತಿಯನ್ನು ದೇಶದ ಕೆಲವೆಡೆ ವಿರೋಧಿಸುವ ಕಾರ್ಯ ನಡೆಯಿತು.ವಾಸ್ತವಾಂಶ ಗೊತ್ತಿದ್ದ ಕೆಲ ಇಂಗ್ಲೀಷ್ ಅಧಿಕಾರಿಗಳೂ “ಭಾಷೆ”ಯ ಆಧಾರದ ಮೇಲೆ ಪ್ರಾಂತ್ಯಗಳನ್ನು ವಿಂಗಡಿಸಲು ಸೂಚಿಸಿದರು. ಆದರೆ ಇದರಿಂದ ಹೆಚ್ಚಿನ ಪ್ರಗತಿಯೇನೂ ಆಗಲಿಲ್ಲ. ಯಥಾಸ್ಥಿತಿ ಮುಂದುವರಿಯಿತು. ಕರ್ನಾಟಕದಲ್ಲಿ ಕನ್ನಡಕ್ಕೆ ಶಾಲೆಗಳಲ್ಲಿ ಹೆಚ್ವಿನ ಮಾನ್ಯತೆ ಸಿಕ್ಕಿತು. ಕೆಲವು ಕನ್ನಡ ಶಾಲೆಗಳು ಪ್ರಾರಂಭವಾದವು.
19 ನೇ ಶತಮಾನದ ಕೊನೆ ವೇಳೆಗೆ ಭಾರತ ಸ್ವತಂತ್ರವಾಗಬೇಕೆಂಬ ಕೂಗು ಎಲ್ಲೆಡೆ ಕೇಳಿಬಂತು. ಆಡಳಿತದ ಅನುಕೂಲಕ್ಕಾಗಿ ವಿಭಜನೆಯಾದ ಭಾಷಿಕರೂ ಸ್ವಾತಂತ್ರ್ಯ ಚಳುವಳಿಗೆ ದೊಡ್ಡ ಪ್ರಮಾಣದಲ್ಲಿಯೇ ಕೈ ಜೋಡಿಸಿದರು. ಭಾಷಾವಾರು ಪ್ರಾಂತ್ಯಗಳು ರಚನೆಗೊಳ್ಳಬೇಕೆಂಬ ಒಳಷರತ್ತಿನೊಡನೆ ಹೋರಾಟ ಮೊದಲಾಯಿತು. ಅದಕ್ಕೆ ಕನ್ನಡ ನಾಡು ಸೇರಿತು, ಕರ್ನಾಟಕ ಏಕೀಕರಣದ ಆಗ್ರಹವೂ ಅದರಲ್ಲಿತ್ತು. ಕನ್ನಡ ಮಾತನಾಡುವ. ಪ್ರದೇಶಗಳಲ್ಲಿ ಮುಂಬೈ ಭಾಗ ಹಾಗೂ ನಿಜಾಮ್ ಆಡಳಿತದ ಪ್ರಾಂತ್ಯಗಳು ಕನ್ನಡಿಗರಿಗೆ ತೊಂದರೆ ಒಡ್ಡಿದ್ದವು. ಒಂದೆಡೆ ಮರಾಠಿ ಪ್ರಾಬಲ್ಯ ಇನ್ನೊಂದೆಡೆ ಉರ್ದು ಹೇರಿಕೆ. ಕನ್ನಡಿಗರದು ಉಸಿರು ಕಟ್ಟಿದಂತ ಪರಿಸ್ಥಿತಿ. ಮುಂಬೈ ವಲಯದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಕನ್ನಡ ಭಾಷೆ ಬೆಳೆಸಲು ಹೆಚ್ಚಿನ ಒತ್ತಾಸೆಗಳು ಆರಂಭಗೊಂಡರು. ಇದಕ್ಕೆ ಶಾಂತ ಕವಿಗಳು, ಡೆಪ್ಯೂಟಿ ಚೆನ್ನಪ್ಪನವರು ಭದ್ರ ಬುನಾದಿಯನ್ನು ಒದಗಿಸಿಕೊಟ್ಟರು. ಕನ್ನಡದ ಚಟುವಟಿಕೆಗಳು ಶಾಲೆಗಳ ಹೊರಗೂ ಪ್ರಾರಂಭಗೊಂಡವು. ರಾ.ಹ ದೇಶಪಾಂಡೆ ಅವರು ಸಮಾನ ಮನಸ್ಕರೊಂದಿಗೆ ಸ್ಥಾಪಿಸಿದ ‘ಕರ್ನಾಟಕ ವಿದ್ಯಾವರ್ಧಕ ಸಂಘ’ ಕನ್ನಡ ಪರದನಿ ಎತ್ತಲು ಸಾಂಸ್ಥಿಕ ರೂಪಕೊಟ್ಟಿತು. ಕನ್ನಡ ‘ವಾಗ್ಭೂಷಣ’ ಪತ್ರಿಕೆ ಏಕೀಕರಣದ ಅಗತ್ಯತೆಯನ್ನು ಸ್ಪಷ್ಟವಾಗಿ ಪ್ರಕಟಿಸಿತು. ಅಸ್ಸಾಂ, ಬಂಗಾಲ, ಗುಜರಾತ್ ಮೊದಲಾದ ಕಡೆಗಳಲ್ಲಿ ಸ್ಥಳೀಯ ಭಾಷೆಗಳ ನೆಲೆಯಲ್ಲಿ ನಡೆಸಿದ ಚಳುವಳಿಗಳನ್ನು ಗಮನಿಸುತ್ತಿದ್ದ ಮುಂಬಯಿ ಭಾಗದ ಕನ್ನಡಿಗರು ಕನ್ನಡ ಏಕೀಕರಣದ ಧ್ವನಿಯನ್ನು ನಿರಂತರವಾಗಿ ಉಳಿಸಿಕೊಂಡು ಬಂದರು. ಇದೇ ಹಾದಿಯಲ್ಲಿ ಅಖಿಲ ಕರ್ನಾಟಕ ಗ್ರಂಥಕರ ಸಮ್ಮೇಳನವೂ ನಡೆಯಿತು.ಎಲ್ಲವೂ ಏಕೀಕರಣಕ್ಕೆ ಪೂರಕವಾದ ವಾತಾವರಣವನ್ನು ಹುಟ್ಟುಹಾಕಿದವು. ಮೈಸೂರು ಪ್ರಾಂತ್ಯದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು 1915 ರಲ್ಲಿ ಜನ್ಮತಾಳಿ ಕನ್ನಡ ಸಾಹಿತ್ಯ ಸಮ್ಮೇಳನಗಳನ್ನು ಕನ್ನಡ ಮಾತನಾಡುವ ಪ್ರದೇಶಗಳಲ್ಲಿ ಏರ್ಪಡಿಸಿ ಅಲ್ಲಿ ಕನ್ನಡಪರ, ಕರ್ನಾಟಕಪರ ಚಿಂತನೆಗಳು ಹೊರ ಹೊಮ್ಮುವಂತೆ ಮಾಡಿತು.
ಕರ್ನಾಟಕದ ಭವ್ಯ ಇತಿಹಾಸ, ಕನ್ನಡ ಸಾಹಿತ್ಯದ ಶ್ರೀಮಂತಿಕೆ , ಕನ್ನಡ ನೆಲದ ವೈಶಿಷ್ಟ್ಯ ಮುಂತಾದ ವಿಷಯಗಳನ್ನು ಒಳಗೊಂಡ ಹಲವಾರು ಕೃತಿಗಳು ಕನ್ನಡಿಗರ ಕೈ ತಲುಪಿದವು. ಎಲ್ಲವೂ ಕರ್ನಾಟಕತ್ವವನ್ನು ಪ್ರತಿಪಾದಿಸುತ್ತಿದ್ದವು. ರಾಷ್ಟೀಯ ಹೋರಾಟದ ಜೊತೆ ಜೊತೆಗೆ ಕರ್ನಾಟಕ ಏಕೀಕರಣ ಚಳುವಳಿಯೂ ಹೆಜ್ಜೆ ಹಾಕಿತು.ಭಾರತದಲ್ಲಿ ಭಾಷಾವಾರು ಪ್ರಾಂತ್ಯಗಳು ಅಗತ್ಯವೆಂಬ ಮುಂದಾಲೋಚನೆಯಿಂದ ಕಾಂಗ್ರೆಸ್ ಪಕ್ಷ ಸಮಿತಿಗಳು ಭಾಷೆಯ ಆಧಾರದ ಘಟಕಗಳಾಗುವಂತೆ ಶ್ರಮಿಸಿದ್ದವು. ಮಹಾತ್ಮಗಾಂಧಿ ಅವರು ಅಖಿಲ ಭಾರತ ಕಾಂಗ್ರೆಸ್ ವಾರ್ಷಿಕ ಅಧಿವೇಶನದ ಅಧ್ಯಕ್ಷತೆ ವಹಿಸಿದ್ದು ಅದರ ಇತಿಹಾಸದಲ್ಲಿ ಒಮ್ಮೆ ಮಾತ್ರ. ಅದು ನಡೆದದ್ದು ಕನ್ನಡದ ನೆಲ ಬೆಳಗಾವಿಯಲ್ಲಿ (1924). ಇದೇ ಸಮ್ಮೇಳನ ಕರ್ನಾಟಕ ಏಕೀಕರಣದ ಮುನ್ನುಡಿ ಬರೆಯಲು ಪ್ರೇರೇಪಿಸಿತು. ಕರ್ನಾಟಕ ಏಕೀಕರಣ ಚಳುವಳಿ ಜೀವಂತವಾಗಿಯೇ ಇತ್ತು.ಸ್ವಾತಂತ್ರ್ಯಾ ನಂತರ ಕಾಂಗ್ರೆಸ್ ಅಗ್ರಗಣ್ಯ ನಾಯಕರಲ್ಲೊಭ್ಬರಾದ ಎಸ್.ನಿಜಲಿಂಗಪ್ಪ ಎಡಬಿಡದೇ ಆಗಿನ ಪ್ರಧಾನಿ ಸೆಹರೂ ಅವರನ್ನು ಏಕೀಕರಣಕ್ಕಾಗಿ ನಿರ್ಧಾರ ತೆಗೆದುಕೊಳ್ಳಲು ನೆನಪು ಮಾಡುತ್ತಲೇ ಇದ್ದರು. ಸ್ವಾತಂತ್ರ್ಯಪೂರ್ವದಲ್ಲಿ ಕಾಂಗ್ರೆಸ್ ನೀಡಿದ್ದ ಆಶ್ವಾಸನೆಗಳನ್ನು ಒಪ್ಪಿಕೊಳ್ಳಲು ಕೇಂದ್ರ ಸರ್ಕಾರ ಹಿಂದೇಟು ಹಾಕಿತು. ಆಂಧ್ರ ಉದಯದ ಸಮಯದಲ್ಲಿ ಬಳ್ಳಾರಿ ಮೈಸೂರಿಗೆ ಸೇರ್ಪಡೆಯಾದ ಸಂಭ್ರಮದ ಗಳಿಗೆಯಲ್ಲಿ ಯುವಕ ರಂಜಾನ್ ಸಾಬ್ ಅಸುನೀಗಿದರು. ಈ ಪ್ರಾಣಿಬಲಿ ಹಿಂದೆಯೇ ಕನ್ನಡಿಗರು ಅಮರಾಣಾಂತ ಉಪವಾಸ, ಸತ್ಯಾಗ್ರಹ ಅಸ್ತ್ರಪ್ರಯೋಗಿಸಿದರು.ದೊಡ್ಡ ಮೇಟಿ ಹಾಗೂ ಅದರ ಗುಂಚಿ ಶಂಕರಕಲ್ಲನ ಗೌಡ ಪಾಟೀಲರು ಉಪವಾಸ ಕೂತರು. ಪರಿಸ್ಥಿತಿ ಬಿಗಡಾಯಿಸಿತು. ಅಧಿಕಾರರೂಢ ಕಾಂಗ್ರೆಸ್ ಕೈಚೆಲ್ಲಿ ಕುಳಿತಾಗ ಕಾಂಗ್ರೆಸೇತರ ಪಕ್ಷಗಳು ಚಳುವಳಿ ಕೈಗೆತ್ತಿಕೊಂಡವು. ಅದರಲ್ಲಿ ಕಮ್ಯುನಿಷ್ಟ್ ಹಾಗೂ ಪ್ರಜಾ ಸಮಾಜವಾದಿ ಪಕ್ಷವಾದಿ ಮುಖ್ಯವಾದವು.
ಆ ವೇಳೆಗೆ ಅಸ್ತಿತ್ವಕ್ಕೆ ಬಂದಿದ್ದ ಅಖಿಲ ಕರ್ನಾಟಕ ರಾಜ್ಯ ನಿರ್ಮಾಣ ಪರಿಷತ್ತು ಏಕೀಕರಣಕ್ಕಾಗಿ ಹೋರಾಟಕ್ಕೆ ಇಳಿಯಿತು. ಪ್ರತಿಭಟನೆ-ಮೆರವಣಿಗೆ ಉಪವಾಸ, ಸಮ್ಮೇಳನ ಇವೆಲ್ಲ ಅವ್ಯಾಹತವಾಗಿ ನಡೆಯಲಾರಂಭಿಸಿದ್ದರಿಂದ ಅನ್ಯಮಾರ್ಗವಿಲ್ಲದೆ ಕೇಂದ್ರ ಸರ್ಕಾರ ನಾ!! ಫಜಲ್ ಆಲಿ ಅವರ ನೇತೃತ್ವದಲ್ಲಿ ಇನ್ನೊಂದು ಆಯೋಗವನ್ನು ನೇಮಿಸಿತು. ಜವಾಹರಲಾಲ ನೆಹರೂ ಅವರಿಗೆ ಕರ್ನಾಟಕ ಏಕೀಕರಣ ಮಾಡಬೇಕಾದ ಅನಿವಾರ್ಯತೆ ಅರ್ಥವಾಗಿತ್ತು. ರಾಜ್ಯ ವಿಂಗಡನಾ ಆಯೋಗವೆಂದು ಉಲ್ಲೇಖಿಸಲ್ಪಟ್ಟ ಈ ಸಮಿತಿಯಲ್ಕಿ ಎಚ್.ಎನ್. ಕುಂಜ್ರು ಹಾಗೂ ಕೆ.ಎಂ. ಫಣಿಕ್ಕರ್ ಸದಸ್ಯರಾಗಿದ್ದರು. ಈ ಮೂವರ ಸಮಿತಿ ಕರ್ನಾಟಕ ಏಕೀಕರಣದ ಎಲ್ಲಾ ಮಗ್ಗುಲುಗಳನ್ನು ಪರಿಶೀಲಿಸಿತು. ಕೊನೆಗೆ ಕನ್ನಡ ರಾಜ್ಯ ಏಕೀಕರಣಗೊಳ್ಳಲು ಪಕ್ವವಾಗಿದೆ ಎಂಬ ವರದಿಯನ್ನು 1955 ರ ಸೆಪ್ಟಂಬರ್ 30 ರಂದು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿತು. ಏಕೀಕರಣಕ್ಕೆ ಲೋಕಸಭೆ, ರಾಜ್ಯಸಭೆಗಳೂ ಒಪ್ಪಿಗೆ ಕೊಟ್ಟ ನಂತರ ರಾಷ್ಟ್ರಪತಿಗಳ ಅಂಕಿತ ಬಿತ್ತು. ಶತಕಗಳಷ್ಟು ಚರಿತ್ರೆ ಇದ್ದರೂ ಎಂದೂ ಏಕಾಡಳಿತಕ್ಕೆ ಒಳಪಡದಿದ್ದ ಕನ್ನಡಿಗರು 1956 ರ ನವೆಂಬರ್ 1 ರಂದು ಒಂದು ರಾಜ್ಯದ ಆಡಳಿತಕ್ಕೆ ಒಂದಾದರು. ಕರ್ನಾಟಕ ರಾಜ್ಯ ರಚನೆಗೆ ಅಂತಿಮ ಅಂಕಿತ ಹಾಕಿದ್ದ ಆಗಿನ ರಾಷ್ಟ್ರಪತಿಗಳಾದ ಬಾಬು ರಾಜೇಂದ್ರಪ್ರಸಾದ್ ಅವರು ಬೆಂಗಳೂರಿನ ಸೆಂಟ್ರಲ್ ಕಾಲೇಜು ಆವರಣದಲ್ಲಿ ವಿಧ್ಯುಕ್ತವಾಗಿ ಮೈಸೂರು (ಕರ್ನಾಟಕ) ರಾಜ್ಯ ಉದಯವನ್ನು ಘೋಷಿಸಿದರು. ವಿಪರ್ಯಾಸವೆಂದರೆ ಬಹುತೇಕ ಕನ್ನಡ ಮಾತನಾಡುವ ಪ್ರದೇಶಗಳು ಆಂಧ್ರ , ತಮಿಳುನಾಡು, ಮಹಾರಾಷ್ಟ್ರ, ಕೇರಳಗಳಲ್ಲಿಯೇ ಉಳಿದು ಬಿಟ್ಟವು. ಕನ್ನಡಿಗರ ಹೊಸ ರಾಜ್ಯಕ್ಕೆ ಮೈಸೂರು ಎಂದು ಕರೆದಿದ್ದು ಅಸಮಾಧಾನಕ್ಕೆ ಕಾರಣವಾಯಿತು. ಇದು ನಡೆದ 17 ವರ್ಷಗಳ ತರುವಾಯ ಸಿ. ದೇವರಾಜ ಅರಸು ಮುಖ್ಯಮಂತ್ರಿಗಳಾಗಿದ್ದಾಗ ಏಕೀಕೃತ ರಾಜ್ಯಕ್ಕೆ ಕರ್ನಾಟಕವೆಂದು ಮರು ನಾಮಕರಣವಾಗಿ ತೃಪ್ತಿಗೆ ಹಾದಿ ಮಾಡಿಕೊಟ್ಟಿತು.
ಈ ಮೇಲೆ ಹೇಳಿರುವುದೆಲ್ಲಾ ಕಥೆಯಲ್ಲ , ಬದಲಾಗಿ ನಡೆದ ಇತಿಹಾಸದ ಒಂದೊಂದು ಅಕ್ಷರಗಳ ಮುತ್ತುಗಳು. ಅಷ್ಟೊಂದು ಮಹನೀಯರುಗಳ ಪರಿಶ್ರಮದ ಫಲವಾಗಿಯೇ ಇಂದು ಅಖಂಡ ಕರ್ನಾಟಕದಲ್ಲಿ ನಾವೆಲ್ಲಾ ಅತ್ಯಂತ ಸಂತೋಷದಿಂದ ಜೀವಿಸುತ್ತಿದ್ದೇವೆ. ಜೇನಿನಂಥ ಸಂಸಾರದಲ್ಲಿ ಹುಳಿ ಹಿಂಡುವ ಕೆಲಸವನ್ನು ಕೆಲ ನಾಯಕರುಗಳು ಅನಾವಶ್ಯಕವಾಗಿ ಮಾಡುತ್ತಿದ್ದಾರೆ. ಜನರು ಮುಗ್ಧರೇ, ಆದರೆ ಜನಗಳನ್ನಾಳುವ ಜನಪ್ರತಿನಿಧಿಗಳು ಮುಗ್ಧರಲ್ಲ.ಚಾಟಿ ಇಲ್ಲದೇ ಬುಗುರಿ ತಿರುಗಿಸುವ ಪ್ರವೀಣರು. ವಾಸ್ತವದಲ್ಲಿ ಅಖಂಡ ಕರ್ನಾಟಕವನ್ನ ಹಿಬ್ಬಾಗ ಮಾಡಲು ಪ್ರಯತ್ನಿಸುತ್ತಿರುವವರಿಗೆಲ್ಲಾ ಏನು ಸಿಗುವುದಿಲ್ಲ ಮತ್ತು ಅದರಿಂದ ಏನೂ ಲಾಭವಾಗುವುದಿಲ್ಲ. ಬದಲಾಗಿ ರಾಜಕಾರಣಿಗಳು ಲಾಭ ಪಡೆದುಕೊಳ್ಳುತ್ತಾರೆ. ಅಭಿವೃದ್ಧಿಯಾಗಲಿಲ್ಲ ಎಂಬ ಒಂದೇ ಕಾರಣ ಇಟ್ಟುಕೊಂಡು ರಾಜ್ಯವನ್ನು ವಿಭಜನೆ ಮಾಡಲು ಹೊರಟಿರುವ ಮುಗ್ಧಜನರಿಗೇನು ಗೊತ್ತು ಇದು ರಾಜಕೀಯದ ದೊಂಬರಾಟವೆಂದು. ಹೈದರಾಬಾದ್ ಕರ್ನಾಟಕ ಮತ್ತು ಮುಂಬೈ ಕರ್ನಾಟಕ ಎಂದು ಅವರೇ ಹೇಳಿಕೊಳ್ಳುತ್ತಿರುವ ಮಾತುಗಳು. ಇಲ್ಲಿ ಯಾವ ಸರ್ಕಾರಗಳಾಗಲೀ , ಮೀಡಿಯಾದವರಾಗಲೀ ಹೇಳುತ್ತಿಲ್ಲ. ಹೈದರಾಬಾದ್ ಕರ್ನಾಟಕಕ್ಕೆ 371J ಎಂಬ ಸಂವಿಧಾನಾತ್ಮಕ ವಿಶೇಷ ಸ್ಥಾನಮಾನವನ್ನು ನೀಡಿ ಆ ಭಾಗದ ಸರ್ವತೋಮುಖ ಅಭಿವೃದ್ಧಿಗೆ ಅದಕ್ಕೆ ಪೂರಕವಾದ ಸವಲತ್ತುಗಳನ್ನು ನೀಡಲಾಗುತ್ತಿದೆ. ಅದನ್ನು ಸದ್ಭಳಕೆ ಮಾಡಿಕೊಳ್ಳಬೇಕಾಗಿರುವುದು ರಾಜಕಾರಣಿಗಳು ಮತ್ತು ಆಯಾ ಕ್ಷೇತ್ರದ ಎಂ.ಎಲ್.ಎ ಮತ್ತು ಎಂ.ಪಿಗಳದ್ದು. ಅಭಿವೃದ್ದಿ ಎಂಬ ಮಂತ್ರದ ಮೂಲಕ ಹುಳಿ ಹಿಂಡುವ ಕೆಲಸ ಮಾಡುತ್ತಿರುವ ವ್ಯಕ್ತಿಗಳು ಅಥವಾ ನಾಯಕರುಗಳು ಜನಪ್ರತಿನಿಧಿಗಳ ಕೊರಳಪಟ್ಟಿ ಹಿಡಿದು ಕೇಳಬೇಕು. ಸ್ವಾತಂತ್ರ್ಯಾ ನಂತರ ಅಥವಾ ಕರ್ನಾಟಕ ಏಕೀಕರಣವಾದ ನಂತರ ಹೈದರಾಬಾದ್ ಕರ್ನಾಟಕಕ್ಕೆ ಅಥವಾ ಉತ್ತರ ಕರ್ನಾಟಕಕ್ಕೆ ಎಷ್ಟು ಅನುಧಾನ ನೀಡಿದ್ದಾರೆಂದು ಅಂಕಿ ಅಂಶಗಳನ್ನು ನೋಡಿದರೆ ತಿಳಿಯುತ್ತದೆ.
ಹಾಗೆ ನೆನ್ನೆಯ ದಿನ ದಿನಾಂಕ 05.08.2018 ರ ಪ್ರಜಾವಾಣಿ ಪತ್ರಿಕೆಯ ಕಡೆ ಕಣ್ಣಾಯಿಸಿದೆ. ಈ ಸಲದ ಬಜೆಟ್ ನಲ್ಲಿ ಉತ್ತರ ಕರ್ನಾಟಕಕ್ಕೆ ಎಷ್ಟು ಅನುಧಾನವನ್ನು ನೀಡಿದ್ದಾರೆ ಎಂದು ಬರೆದಿತ್ತು.ಅದನ್ನು ನೋಡಿ ಆಶ್ಚರ್ಯವಾಯಿತು. 13 ಜಿಲ್ಲೆಗಳಿಗೆ ಬರೋಬರಿ 7241 ಕೋಟಿ ರೂ.ಗಳು ಮತ್ತು ಮಿಕ್ಕ ದಕ್ಷಿಣ ಜಿಲ್ಲೆಗಳಿಗೆ 7238 ಕೋಟಿ ರೂ.ಗಳು ನೀಡಿದ್ದಾರೆ. ಇದರಿಂದಲೇ ತಿಳಿಯುತ್ತದೆ ಕುಮಾರಸ್ವಾಮಿಯವರ ನೇತೃತ್ವದ ಸಮ್ಮಿಶ್ರ ಸರ್ಕಾರ ಮಲತಾಯಿ ಧೋರಣೆ ಮಾಡುತ್ತದೆಯೋ ಇಲ್ಲಾ ತಾಯಿ ಮಮತೆ ತೋರುತ್ತದೆಯೋ ಎಂದು. ಅವರು ಹೇಳಿದಂತೆ ಮಾಡಲು ಹೊರಟೇವೆಂದರೆ ಒಂದು ರಾಜ್ಯವನ್ನು ಕಟ್ಟುವುದು, ಬೆಳೆಸುವುದು ಅಷ್ಟೊಂದು ಸುಲಭದ ಮಾತಲ್ಲ. ಒಂದು ರಾಜ್ಯವನ್ನು ಹೊಸದಾಗಿ ಸೃಷ್ಟಿಸಲು ಹೋದರೆ ಸಂವಿಧಾನಾತ್ಮಕವಾಗಿ ಒಪ್ಪಿಗೆ ಇದ್ದರೂ ಆರ್ಥಿಕವಾಗಿ, ನೈಸರ್ಗಿಕವಾಗಿ, ಸ್ವಾಭಾವಿಕ ಸೌಕರ್ಯಾದಿಗಳಾಗಿ ನೋಡಕೊಳ್ಳಬೇಕಾಗುತ್ತದೆ. ಒಂದು ರಾಜ್ಯವನ್ನು ನಡೆಸಲು ಸಾಲ ತರುವುದೊಂದೇ ಮಾರ್ಗವಲ್ಲ, ಅದನ್ನು ತೀರಿಸಲು ಆದಾಯ ಬೇಕಲ್ಲವೇ? . ಆದಾಯದ ಮೂಲ ಯಾವುದಿದೆ ಉತ್ತರ ಭಾಗಕ್ಕೆ ?. ಪಕ್ಕದ ಆಂಧ್ರಪ್ರದೇಶವನ್ನು ನೋಡಿಯಾದರೂ ಬುದ್ದಿ ಕಲಿಯಬಹುದು. ಆದಾಯದ ಭಾಗವೆಲ್ಲಾ ತೆಲಾಂಗಣ ಭಾಗಕ್ಕೆ ಸೇರ್ಪಡೆಯಾಗಿ ಆಂಧ್ರಪ್ರದೇಶ ರಾಜ್ಯ ಅಭಿವೃದ್ಧಿಗೆ ಹೆಣಗಾಡುತ್ತಿದೆ. ಅದಕ್ಕಾಗಿ ಬಿಜೆಪಿಯ ಮೈತ್ರಿ ಪಕ್ಷವಾಗಿ ಚಂದ್ರಬಾಬುನಾಯ್ಡು ಸರ್ಕಾರ ಗುರುತಿಸಿಕೊಂಡರೂ ಅದರಿಂದ ಏನೂ ಪ್ರಯೋಜನವಾಗದೇ ಮೈತ್ರಿಯಿಂದ ಹೊರಬಂದದ್ದು ಈಗ ಇತಿಹಾಸ. ಹೊಸ ರಾಜಧಾನಿ ಸೃಷ್ಠಿಸಲು ಹರಸಾಹಸ ಪಡುತ್ತಿದೆ. ಅದರಂತೆಯೇ ಸಂಕಷ್ಟಗಳನ್ನು ಎದುರಿಸಬೇಕಾಗುತ್ತದೆ. ಪ್ರಸ್ತುತವಾಗಿ ಇರುವಂತ ಅಖಂಡ ಕರ್ನಾಟಕಕ್ಕೆ ಆದಾಯವೆಂದರೆ ಸಾಫ್ಟ್ ವೇರ್ ಮತ್ತು ಕೈಗಾರಿಕ ವಲಯಗಳು.ಇವೆರಡೂ ದಕ್ಷಿಣ ಭಾಗದಲ್ಲಿ ಇರುವುದರಿಂದ ಉತ್ತರಕ್ಕೆ ಅನಾನುಕೂಲವಾಗುವುದರಲ್ಲಿ ಸಂದೇಹವಿಲ್ಲ. ನೈಸರ್ಗಿಕವಾಗಿಯೂ ಕೂಡ ದಕ್ಷಿಣ ಕರ್ನಾಟಕ ಬಹಳ ಆದಾಯದಲ್ಲಿದೆ.
ದಕ್ಷಿಣದವರು ನಮಗೆ ಯಾವ ರೀತಿಯ ಬೆಂಬಲವನ್ನು ನೀಡುತ್ತಿಲ್ಲ ಎಂಬ ಆರೋಪ ಎಷ್ಟು ಸರಿ ?.ಕಳಸಾ ಬಂಡೂರಿ ವಿಚಾರದಲ್ಲಿ ಎಲ್ಲರೂ ಅವರ ಬೆಂಬಲಕ್ಕೆ ನಿಂತಿಲ್ಲವೇ? .ಇತ್ತೀಚಿಗಷ್ಟೇ ಕೇಂದ್ರದ ಪ್ರತಿಷ್ಟಿತ ವಿದ್ಯಾಕೇಂದ್ರ ಐ.ಐ.ಟಿ ಯನ್ನು ಧಾರವಾಡಕ್ಕೆ ನೀಡಲಿಲ್ಲವೇ? . ಕರ್ನಾಟಕ ಏಕೀಕರಣಕ್ಕೆ ಅರವತ್ತು ತುಂಬಿದ ಸಂಭ್ರಮದಲ್ಲಿ ಸುವರ್ಣ ಕರ್ನಾಟಕದ ನೆನಪಿಗಾಗಿ ಅವರ ಇಚ್ಛೆಯಂತೆ ಸುಮಾರು 594 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಆಡಳಿದ ಶಕ್ತಿಕೇಂದ್ರವಾದ ವಿಧಾನ ಸೌಧದ ತದ್ರೂಪು ಎಂಬಂತೆ “ಸುವರ್ಣ ಸೌಧ” ವನ್ನು ಬೆಳಗಾವಿಯಲ್ಲಿ ನಿರ್ಮಾಣ ಮಾಡಿಲ್ಲವೇ?. ದೂರದಿಂದ ಬರಲಾಗದು ಎಂಬ ಉದ್ದೇಶದಿಂದ ಹುಬ್ಬಳ್ಳಿಯಲ್ಲಿ ಸಂಚಾರಿ ಉಚ್ಚನ್ಯಾಯಾಲಯವನ್ನು ಸ್ಥಾಪಿಸಲಾಯಿತು. ಇನ್ನು ಹಲವು ಪ್ರತಿಷ್ಟಿತ ಯೋಜನೆಗಳನ್ನು ಉತ್ತರ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನದ ಅಭಿಮಾನದ ಮೇಲೆ ನೀಡಲಾಗಿದೆ. ಹೀಗಿರುವಾಗ ಇಲ್ಲಿ ಅಭಿವೃದ್ಧಿ ಆಗಿಲ್ಲವೆಂಬ ಅನುಮಾನವೇಕೆ? . ಲೋಕಸಭೆಯಲ್ಲಿ, ವಿಧಾನಸಭೆಯಲ್ಲಿ ಮಾತನಾಡಿ ಕ್ಷೇತ್ರದ ಅಭಿವೃದ್ಧಿಯ ಬಗ್ಗೆ ಅರಿವು ಮೂಡಿಸು ಅನುದಾನವನ್ನು ಬಿಡುಗಡೆಗೊಳಿಸಿಕೊಂಡು ಮಾದರಿ ಕ್ಷೇತ್ರಗಳಾಗಿ ಮಾಡಿ ಜನರ ವಿಶ್ವಾಸವನ್ನು ಗೆಲ್ಲಬೇಕಾದದ್ದು ಜನಪ್ರತಿನಿಧಿಗಳ ಕೆಲಸ. ಹೋರಾಟ ಮಾಡಲೆಂದು ಹಳ್ಳಿಯ ಜನಗಳಿಗೆ 100/- ಅಥವಾ 200/- ರೂ.ಗಳ ಕೊಟ್ಟು ಪ್ರತಿಭಟನೆ ಮಾಡಿಸಿದರೆ ಪಾಪ ಅವರಿಗೆ ಸಿಗುವುದಾದರೂ ಏನು ?.
ಮೊದಲೇ ಹೇಳಿದಂತೆ ಒಂದು ರಾಜ್ಯಕ್ಕೆ ಆದಾಯದ ಮೂಲ ಎಂದರೆ ತೆರಿಗೆ. ತೆರಿಗೆ ವಸೂಲಿ ಮಾಡಬೇಕೆಂದರೆ ಅವರಿಗೆ ಪೂರಕವಾದ ಮೂಲಸೌಲಭ್ಯಗಳ ಒದಗಿಸಬೇಕು. ಬಂಡವಾಳ ಶಾಹಿಗಳಿಂದ ಬಂಡವಾಳ ಹೂಡಿಕೆ ಮಾಡಿದಾಗ ಮಾತ್ರ ತೆರಿಗೆ ಬಂದು ಒಂದು ಸರ್ಕಾರನ್ನು ನಡೆಸಲು ಆಗುವುದು. ಈಗಿನ ಪರಿಸ್ಥಿತಿಯನ್ನು ಗಮನಿಸಿದಾಗ ಕೇಂದ್ರ ಸರ್ಕಾರ ಎಷ್ಟರ ಮಟ್ಟಿಗೆ ಬೆಂಬಲವಾಗಿ ನಿಲ್ಲುತ್ತದೆ ತಿಳಿದಿಲ್ಲ. ಒಮ್ಮತವಾದ ಸರ್ಕಾರ ಒಮ್ಮೆಯೂ ಬಂದಿಲ್ಲ. ಕೇಂದ್ರದಲ್ಲಿ ಒಂದು ಪಕ್ಷವಾದರೆ, ರಾಜ್ಯದಲ್ಲಿ ಇನ್ನೊಂದು ಪಕ್ಷ. ಯಾವಾಗಲೂ ದಾಯಾದಿಯ ಹಗೆಯಂತೆಯೇ ಮಲತಾಯಿ ಧೋರಣೆ ತೋರಿಸುತ್ತಾ ಬಂದಿವೆ. ಅನುದಾನವನ್ನೂ ಸಹ ನಮ್ಮ ರಾಜ್ಯಕ್ಕೆ ಸರಿಯಾಗಿ ವಿತರಣೆ ಮಾಡುವುದಿಲ್ಲ. ಇದು ನಮ್ಮ ಕರ್ನಾಟಕದ ದುರಾದೃಷ್ಟ ಎನ್ನಬಹುದು. ಇನ್ನು ರಾಜ್ಯ ಹೋಳಾದರೆ ಖಂಡಿತವಾಗಿಯೂ ಸಹಾಯ ಮಾಡುತ್ತದೆ ಎಂಬ ಯಾವ ನಂಬಿಕೆಯೂ ಇಲ್ಲ. ಮೊದಲೆ ಉತ್ತರ ಕರ್ನಾಟಕ ಬಯಲು ಸೀಮೆ, ಬಿಸಿಲನಾಡು ಎಂದೆಲ್ಲಾ ಖ್ಯಾತಿಗಳಿಸಿದೆ. ಹೀಗಿರುವಾಗ ವಿಭಜನೆಯಾಗಿ ಸಿಗುವ ಸವಲತ್ತಿನಿಂದಲೂ ವಂಚಿತವಾಗಬೇಕಾಗುತ್ತದೆ. ಅಖಂಡ ಕರ್ನಾಟಕದಲ್ಲಿ ಆರು ಕೋಟಿ ಜನರಿದ್ದರೂ ಪಕ್ಕದ ತಮಿಳುನಾಡು ಕಾವೇರಿ ನೀರಿನ ವಿಚಾರಕ್ಕೆ ಬಂದಾಗ ಅವರ ಹಿಡಿತಕ್ಕೆ ಒಳಗಾಗುತ್ತೇವೆ. ಇನ್ನು ಇಬ್ಭಾಗವಾದರೆ ಖಂಡಿತವಾಗಿಯೂ ಅದರ ಬೆರಳ ತುದಿಯಲ್ಲಿ ಆಡಿಸಿಬಿಡುತ್ತಾರೆ.
ಅಷ್ಟಕ್ಕೂ ಇಲ್ಲಿ ನಡೆಯುತ್ತಿರುವುದು ಬರೀ ಪ್ರದೇಶಗಳ ಹಂಚಲಾಟವಲ್ಲ. ರಾಜಕೀಯದ ಚದುರಂಗದಾಟ, ಜಾತಿರಾಜಕಾರಣದ ದೊಂಬರಾಟ. ರಾಜಕಾರಣಿಗಳ ಪ್ರಕಾರ ಜಾತಿ ಆಧಾರದಲ್ಲಿ ಜನಸಂಖ್ಯೆಯನ್ನು ನೋಡಿದಾಗ ಲಿಂಗಾಯಿತರೇ ಪ್ರಾಬಲ್ಯ ಹೊಂದಿದ್ದಾರೆ ಎಂದು ತಿಳಿದು ಹೇಗಿದ್ದರೂ ಲಿಂಗಾಯಿತರು ಬಿಜೆಪಿ ಸಾರಥ್ಯ ವಹಿಸಿರುವ ಬಿ.ಎಸ್.ಯಡಿಯೂರಪ್ಪ ನವರ ಮೇಲೆ ವಿಶ್ವಾಸ ಹೊಂದಿರುತ್ತಾರೆ. ರಾಜ್ಯ ವಿಭಜನೆಯಾದರೆ ಖಂಡಿತವಾಗಿಯೂ ಉತ್ತರ ಕರ್ನಾಟಕದಲ್ಲಿ ಬಿಜೆಪಿ ಪಕ್ಷವು ಏಕಚಕ್ರಾಧಿಪತ್ಯವನ್ನು ಸಾಧಿಸಬಹುದು ಎಂಬ ದೂರಾಲೋಚನೆ. ನಿಜ ಹೇಳಬೇಕೆಂದರೆ ಇದು ದೂರಾಲೋಚನೆಯಲ್ಲ ದುರಾಲೋಚನೆ ಎಂದೇ ಹೇಳಬಹುದು. ಆದರೆ ಕಾಂಗ್ರೆಸ್ ನಲ್ಲೂ ಲಿಂಗಾಯಿತ ಘಟಾನುಘಟಿ ನಾಯಕರುಗಳಿರುವುದರಿಂದ ಬಿಜೆಪಿಗೆ ಸ್ವಲ್ಪ ಕಷ್ಟವೆಂದೇ ಹೇಳಬಹುದು. ರಾಜ್ಯ ವಿಭಜನೆ ವಿಷಯವಾಗಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಕುಮಾರಸ್ವಾಮಿಯವರು ಹೇಳಿಕೆ ನೀಡಿದ್ದಾರೆ ಎನ್ನಲಾದ ವೀಡಿಯೋವನ್ನು ಸಂಪೂರ್ಣವಾಗಿ ಕೇಳಿದ ಮೇಲೆ ಒಂದು ಸ್ಪಷ್ಟವಾಯಿತು. ಅವರು ಅಲ್ಲಿ ಬಹಳ ನೋವಿನಿಂದ, ಒತ್ತಡದಿಂದ , ಹತಾಶೆಯಿಂದ “ಬೇರೆ ರಾಜ್ಯ ಬೇಕು ಎಂದು ಕೇಳುತ್ತಿದ್ದೀರಿ ಎಂಗೋ ತಗೋಳ್ರಪ್ಪಾ” ಎಂದು ಹೇಳಿದ್ದಾರೆ. ಇದರಲ್ಲಿ ತಪ್ಪೇನಿದೆ ಒಬ್ಬ ವ್ಯಕ್ತಿಯನ್ನು ಎಡೆಬಿಡದೆ ತಿಣುಕುತ್ತಿದ್ದರೆ ಮನಸ್ಸು ಹುಚ್ಚೇಳುವುದು ಸಹಜ. ಅದರಂತೆಯೇ ಮುಖ್ಯಮಂತ್ರಿಗಳು ಮಾತನಾಡಿದ್ದಾರೆ. ಅವರೂ ಕೂಡ ಮನುಷ್ಯರಲ್ಲವೇ? ಅವರಿಗೂ ಕೂಡ ಭಾವನೆಗಳು, ಆತ್ಮಗೌರವ, ರೋಷವೇಷ ಎಲ್ಲವೂ ಇದೆ. ಬೀದಿಗಳಲ್ಲಿ ನಾಯಿಗಳಂತೆ ವಿರೋಧ ಪಕ್ಷದ ನಾಯಕರು ಸಿಕ್ಕಸಿಕ್ಕ ಕಡೆ ಮೀಡಿಯಾ ಮುಂದೆ ಸ್ಟೇಟ್ಮೆಂಟ್ ಕೊಟ್ಟರೆ ಹೇಗೆ. ನಿಜವಾಗಿಯೂ ರಾಜ್ಯದ ಅಭಿವೃದ್ಧಿ ಕಡೆಗೆ ಗಮನ ಇದ್ದರೆ ಕೂತು ಚರ್ಚಿಸಿ ಮಾಡಬೇಕು. ಅವತಿಗೆ ಬೇಕಾಗಿರುವುದು ಅಧಿಕಾರ, ಅಭಿವೃದ್ಧಿಯಲ್ಲ.
ಸನ್ಮಾನ್ಯ ಕುಮಾರಸ್ವಾಮಿಯವರು ಟಿವಿ ಮಾಧ್ಯಮದವರ ಬಗ್ಗೆ ಮಾತನಾಡಿದ್ದಾರೆನ್ನಲಾದ ವಿಷಯವನ್ನಿಟ್ಟುಕೊಂಡು ಅವರ ತೇಜೋವಧೆ ಮಾಡಲಿಕ್ಕೆ ಹೊರಟಿರುವುದು ಎಷ್ಟು ಸರಿ. ಹೌದು ಟಿವಿ ಮಾಧ್ಯಮದವರಿಂದಲೇ ಅಖಂಡ ಕರ್ನಾಟಕ ಹೋಳಾಗಬೇಕೆಂಬ ಕೂಗು ಎದ್ದಿರುವುದು. ಕೆಲಸಕ್ಕೆ ಬಾರದ ಅದೂ ರಾಜಕಾರಣಿಗಳನ್ನೇ ಕೂರಿಸಿಕೊಂಡು ಪಬ್ಲಿಕ್ ಟಿವಿಯಲ್ಲಿ ಪ್ರತಿದಿನ ರಾತ್ರಿ 8 ಗಂಟೆಗೆ ಚರ್ಚೆ ನಡೆಯುತ್ತದೆ. ಅದು ರಾಜ್ಯದ ಹಿತವನ್ನ ಕಾಪಾಡುವ ಚರ್ಚೆಯಾಗಿರುವುದಿಲ್ಲ, ಬದಲಾಗಿ ಅವರವರ ಪಕ್ಷದವರ ಘನತೆಯನ್ನು ಬಿಂಬಿಸಿಕೊಳ್ಳುವ ಚರ್ಚೆಗಳಾಗಿರುತ್ತದೆ ಮತ್ತು ಅಕ್ಷರ ಸಹ ಬೀದಿ ನಾಯಿಗಳ ಜಗಳದಂತಿರುತ್ತದೆ.ಅದರ ಹೊರತಾಗಿ ಸಾಹಿತಿಗಳನ್ನೋ, ಚಿಂತಕರನ್ನೋ ಕರೆಸಿ ಮಾತನಾಡಬಹುದಲ್ಲ. ಅರುಣ್ ಬಡಿಗೇರ್ ಎಂಬ ನಿರೂಪಕ ತಾನೇ ಮೇಧಾವಿ ಎಂದು ತಿಳಿದುಕೊಂಡಿದ್ದಾನೆ ಮತ್ತು ವಯಸ್ಸಿಗೆ, ಹುದ್ದೆಗೆ ಮರ್ಯಾದೆ ನೀಡದೇ ಮಾತನಾಡುತ್ತಾನೆ. ಮೀಡಿಯಾದವರು ತೋರಿಸುವ ಮತ್ತು ಮಾತನಾಡುವ ವಿಷಯದಿಂದ ದೇಶಕ್ಕೆ ಅಥವಾ ರಾಜ್ಯಕ್ಕೆ ಒಳ್ಳೆಯದಾಗಬೇಕೇ ಹೊರತು ಕೆಡುಕಾಗಬಾರದು. ಇನ್ನಾದರೂ ರಾಜಕಾರಣಿಗಳು, ಸಂಘಟನೆಗಳು ಮತ್ತು ಮೀಡಿಯಾದವರು ಅನಾವಶ್ಯಕ ವಿಚಾರಗಳನ್ನು ಬಿಟ್ಟು ರಾಜ್ಯದ ಅಭಿವೃದ್ಧಿ ಬಗ್ಗೆ ಗಮನ ಹರಿಸಿ ಅಖಂಡ ಕರ್ನಾಟಕಕ್ಕೆ ದುಡಿಯಿರಿ ಎಂದು ಆಶಿಸುತ್ತೇನೆ.
ಜೈ ಕರ್ನಾಟಕ ಜೈ ಭಾರತ
–ಮಹದೇವ್ ಬಿಳುಗಲಿ
9611339024
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು
~ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ
ಆಗಸ್ಟ್ ದಿನಾಂಕ 8 ಮತ್ತು 9ನೇ ತಾರೀಕು,ಸಾಹಿತ್ಯದ ಬೃಹತ್ ಹಡಗೊಂದು ಶ್ರೀಮಂತನಗರಿ ದಾವಣಗೆರೆ. ಜ್ಞಾನದ ಗೂಡು ಸಾಹಿತ್ಯ ಕಲಾರಸಿಕರ ಬೀಡು. ವಿವಿಧ ಖಾದ್ಯಗಳ ರಸದೌತಣದ ನಾಡು,ಸರಸ್ವತಿ ನೆಲೆಸಿದ ನಾಡು ದಾವಣಗೆರೆ.
ಎಲ್ಲ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿರುವ ಬಹು ತಾಳ್ಮೆಯ ಕುಟುಂಬವನ್ನು ನಿರ್ವಹಿಸಿಕೊಂಡು ಸಂಸಾರದ ನೌಕೆಯನ್ನು ಸಾಗಿಸುತ್ತಾ ಅದರ ಜೊತೆಗೆ ತಮ್ಮ ಮನೋರಂಜನೆ ಸಾಹಿತ್ಯ ಸಮಾಜ ಜ್ಞಾನ ವಿಜ್ಞಾನಗಳ ಸಕಲ ಕಲಾವಿದ್ಯೆಗಳಲ್ಲಿ ತೊಡಗಿಸಿಕೊಂಡಿರುವ ನಮ್ಮೆಲ್ಲರ ಮಹಿಳೆಯರ ಪರವಾಗಿ ಈ ನಮ್ಮ ಕನ್ನಡ ಸಾಹಿತ್ಯ ಪರಿಷತ್ತು ಒಂದು ಅತ್ಯದ್ಭುತವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಕನ್ನಡ ಸಾಹಿತ್ಯ ಪರಿಷತ್ ಶ್ರೀ ಬಿ ವಾಮದೇವಪ್ಪ ತೊಗಲೇರಿ ಅಧ್ಯಕ್ಷರ ಸಮ್ಮುಖದಲ್ಲಿ ಈ ಮಹಿಳಾ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು . ಸಮ್ಮೇಳನದ ಅಧ್ಯಕ್ಷರು ಮಹಾಪೋಷಕರು ಡಾಕ್ಟರ್ ಪ್ರಭಾ ಮಲ್ಲಿಕಾರ್ಜುನ್, ಹಾಗೆಯೇ ಉದ್ಘಾಟಕರಾಗಿ ಮಹಿಳಾ ಆಯೋಗದ ಡಾಕ್ಟರ್ ನಾಗಲಕ್ಷ್ಮಿ ಚೌದರಿ, ಪ್ರಧಾನ ಸಂಚಾಲಕರು ರಾಜ ಯೋಗಿನಿ ಬ್ರಹ್ಮಕುಮಾರಿ ನೀಲಾಜಿ ಅವರೆಲ್ಲರಿಗೂ ಸ್ವಾಗತವನ್ನು ಬಯಸುತ್ತಾ ,
ಸ್ವಾಗತ ಸಮಿತಿ, ಹಣಕಾಸು ಸಮಿತಿ ,ಸಾಹಿತ್ಯ ಸಮಿತಿ, ಆಹಾರ ಸಮಿತಿ ,ಸಾಂಸ್ಕೃತಿಕ ಸಮಿತಿ ,ವೇದಿಕೆ ಸಮಿತಿ, ಸ್ಮರಣ ಸಂಚಿಕೆ ಸಮಿತಿ, ಪ್ರಚಾರ ಸಮಿತಿ, ಶಿಸ್ತು ಸಮಿತಿ ಮೆರವಣಿಗೆ ಸಮಿತಿ,ಪುಸ್ತಕ ಮಳಿಗೆ ಸಮಿತಿ ,ಅತಿಥಿ ಸತ್ಕಾರ ಸಮಿತಿ, ಸ್ಪರ್ಧಾ ಸಮಿತಿ, ಎಲ್ಲದಕ್ಕೂ ಸಹಕಾರ ಕೊಟ್ಟಂತಹ ಶ್ರೀ ಸಮರ್ಥ್ ಶಾಮನೂರ್ ಮಲ್ಲಿಕಾರ್ಜುನ್ ಶಾಸಕರು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ, ಶ್ರೀ ಸೋಮೇಶ್ವರ ಸಮೂಹ ಸಂಸ್ಥೆಗಳು.
ಎಲ್ಲ ಕಾರ್ಯಕ್ರಮಗಳನ್ನು ಸುಸಜ್ಜಿತವಾಗಿ ನಡೆಸಿ ಕೊಡುತ್ತಿರುವ ಶ್ರೀಮತಿ ಸುಮತಿ ಜಯಪ್ಪ, ಶ್ರೀಮತಿ ಯಶಾ ದಿನೇಶ್ ,ಶ್ರೀಮತಿ ವೀಣಾ ಕೃಷ್ಣಮೂರ್ತಿ , ಶ್ರೀಮತಿ ಸತ್ಯಭಾಮ ಮಂಜುನಾಥ್, ಶ್ರೀಮತಿ ಮಲ್ಲಮ್ಮ ಎಂ ಎಸ್ ,ಶ್ರೀಮತಿ ನೀಲಗುಂದ ಜಯಮ್ಮ, ಶ್ರೀಮತಿ ಜಯಲಕ್ಷ್ಮಿ ಮಹೇಶ್, ಶ್ರೀಮತಿ ಪ್ರೇಮ ಸೋಮಶೇಖರ್ ಹೇಮ ಗಣೇಶ್ ಶೇಟ್, ಸುನಿತಾ ಪ್ರಕಾಶ್, ವರದಿಗಾರರಾದ ಭಾರತಿ ಎಚ್ ,ಹಾಗೆ ಎ ಬಿ ರುದ್ರಮ್ಮ, ಆಮಂತ್ರಣ ಪತ್ರಿಕೆ ಎಲ್ಲಾ ಗೆಳತಿಯರು ಇವರೊೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೊಡುತ್ತಿರುವ ಎಲ್ಲ ಪ್ರತಿಭೆಗಳಿಗೂ ಹಾಗೂ ಕವಿಗೋಷ್ಠಿ ಕವಿತೆಗಳನ್ನು ವಾಚಿಸುವವರೆಗೂ ಹಾಗೆಯೇ ಸಾಹಿತ್ಯ ರತ್ನ ಪ್ರಶಸ್ತಿ ಪ್ರಧಾನ, ಪಡೆಯುತ್ತಿರುವ ಎಲ್ಲ ಸಹೋದರಿಯರಿಗೂ ಅಭಿನಂದನೆಗಳು ಹಾಗೆ ಎಲ್ಲ ಮಹಿಳಾ ಮಣಿಗಳ ಆಗಮನಕ್ಕೆ ಶುಭವನ್ನು ಕೋರುತ್ತಿರುವ ಶ್ರೀಮತಿ ವೀಣಾ ಮಹಂತೇಶ್ ಬಿ ಎಮ್ ದಾವಣಗೆರೆ.
ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ.

ಅಂಕಣ
ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ
ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ ಕಂಠಸಿರಿಯಿಂದ ಆರು ದಶಕಗಳಿಗೂ ಹೆಚ್ಚು ಕಾಲ ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯವನ್ನು ಗೆದ್ದಿದ್ದ ಈ ಮಹಾನ್ ಹಿನ್ನೆಲೆ ಗಾಯಕಿ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನವು ಕೇವಲ ಒಬ್ಬ ಗಾಯಕಿಯ ಅಗಲಿಕೆಯಲ್ಲ; ಭಾರತೀಯ ಸಂಗೀತ ಪರಂಪರೆಯ ಒಂದು ಮಹತ್ತರ ಯುಗದ ಅಂತ್ಯವಾಗಿದೆ.
ಸಂಗೀತವು ಭಾಷೆಯ ಎಲ್ಲೆಗಳನ್ನು ಮೀರಿ ಹೃದಯವನ್ನು ತಲುಪುವ ಮಾಧ್ಯಮ. ಆ ಸತ್ಯವನ್ನು ತಮ್ಮ ಗಾಯನದ ಮೂಲಕ ಸಾಬೀತುಪಡಿಸಿದ ಕಲಾವಿದೆ ಎಸ್. ಜಾನಕಿ. ಅವರು ಹಾಡಿದ ಸಾವಿರಾರು ಗೀತೆಗಳು ಇಂದಿಗೂ ಪ್ರೀತಿ, ವಿರಹ, ಭಕ್ತಿ, ಮಾತೃತ್ವ, ಸಂತೋಷ ಮತ್ತು ಬದುಕಿನ ಸೂಕ್ಷ್ಮ ಭಾವನೆಗಳಿಗೆ ಧ್ವನಿಯಾಗಿವೆ. ಅವರ ಕಂಠ ಕೇಳಿದ ಕ್ಷಣವೇ ಹಾಡಿನ ಪಾತ್ರ ಜೀವಂತವಾಗಿ ಕಣ್ಣೆದುರು ಮೂಡುತ್ತಿತ್ತು. ಅದೇ ಅವರ ಗಾಯನದ ಮಹತ್ವ.
ಸಾಮಾನ್ಯ ಕುಟುಂಬದಿಂದ ಸಂಗೀತ ಸಾಮ್ರಾಜ್ಯದವರೆಗೆ
1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ಸಮೀಪ ಜನಿಸಿದ ಜಾನಕಿ, ಬಾಲ್ಯದಿಂದಲೇ ಸಂಗೀತದತ್ತ ಅತೀವ ಆಸಕ್ತಿ ಹೊಂದಿದ್ದರು. ಮನೆಯಲ್ಲಿದ್ದ ಸಂಗೀತದ ವಾತಾವರಣವೇ ಅವರ ಪ್ರತಿಭೆಗೆ ಮೊದಲ ಪ್ರೇರಣೆ. ಸಂಪ್ರದಾಯಬದ್ಧ ಸಂಗೀತ ಶಿಕ್ಷಣ ಸೀಮಿತವಾಗಿದ್ದರೂ, ದೇವರು ನೀಡಿದ ಸಹಜ ಕಂಠವೇ ಅವರನ್ನು ಅಪರೂಪದ ಗಾಯಕಿಯನ್ನಾಗಿ ರೂಪಿಸಿತು.
ಕುಟುಂಬದ ಬೆಂಬಲದೊಂದಿಗೆ ಅವರು ಆಗಿನ ಮದ್ರಾಸಿಗೆ ತೆರಳಿ ಹಿನ್ನೆಲೆ ಗಾಯನದಲ್ಲಿ ಅವಕಾಶ ಹುಡುಕಿದರು. ಆರಂಭದ ದಿನಗಳು ಸುಲಭವಾಗಿರಲಿಲ್ಲ. ಆದರೆ ಪ್ರತಿಭೆ, ಶ್ರಮ ಮತ್ತು ಸಂಗೀತದ ಮೇಲಿನ ಅಚಲ ನಿಷ್ಠೆ ಅವರನ್ನು ಬೇಗನೇ ಸಂಗೀತ ನಿರ್ದೇಶಕರ ಗಮನಕ್ಕೆ ತಂದಿತು. 1957ರಲ್ಲಿ ಆರಂಭವಾದ ಅವರ ಗಾಯನಯಾನ, ನಂತರ ಭಾರತದ ಸಂಗೀತ ಇತಿಹಾಸದಲ್ಲೇ ಅತ್ಯಂತ ದೀರ್ಘ ಹಾಗೂ ಯಶಸ್ವಿ ಪಯಣಗಳಲ್ಲಿ ಒಂದಾಗಿ ಬೆಳೆಯಿತು.
ಭಾಷೆಗಳ ಗಡಿಗಳನ್ನು ಮೀರಿ ಮೊಳಗಿದ ಧ್ವನಿ
ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ, ಒಡಿಯಾ, ತುಳು, ಕೊಂಕಣಿ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ಅವರು ಸಾವಿರಾರು ಹಾಡುಗಳನ್ನು ಹಾಡಿದರು. ವಿವಿಧ ಮೂಲಗಳ ಪ್ರಕಾರ ಅವರು 40 ಸಾವಿರಕ್ಕೂ ಅಧಿಕ ಗೀತೆಗಳಿಗೆ ಧ್ವನಿಯಾಗಿದ್ದಾರೆ.
ಪ್ರತಿ ಭಾಷೆಯ ಉಚ್ಚಾರಣೆಯನ್ನು ಅತ್ಯಂತ ಶ್ರದ್ಧೆಯಿಂದ ಕಲಿತು, ಆ ಭಾಷೆಯವರೇ ಹಾಡಿದಂತೆ ಹಾಡುವುದು ಅವರ ವಿಶೇಷತೆ. ಅದಕ್ಕಾಗಿಯೇ ಅವರು ಹಾಡಿದ ಗೀತೆಗಳನ್ನು ಯಾವ ರಾಜ್ಯದ ಜನರೂ ತಮ್ಮದೇ ಭಾಷೆಯ ಹಾಡುಗಳೆಂದು ಪ್ರೀತಿಸಿದರು. ಒಬ್ಬ ಗಾಯಕಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ.
ಕನ್ನಡಿಗರ ಮನದ ಜಾನಕಿ
ಕರ್ನಾಟಕದ ಸಂಗೀತಾಸಕ್ತರಿಗೆ ಎಸ್. ಜಾನಕಿ ಎಂದರೆ ವಿಶೇಷವಾದ ಭಾವನಾತ್ಮಕ ಬಂಧ. ಕನ್ನಡ ಚಿತ್ರರಂಗದ ಸುವರ್ಣಯುಗದ ನೂರಾರು ಅಮರಗೀತೆಗಳಿಗೆ ಅವರು ಜೀವ ತುಂಬಿದ್ದಾರೆ.
ಡಾ. ರಾಜ್ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್, ಅನಂತ್ ನಾಗ್, ರಮೇಶ್ ಅರವಿಂದ್ ಸೇರಿದಂತೆ ಹಲವು ತಲೆಮಾರಿನ ನಟ–ನಟಿಯರ ಭಾವನೆಗಳಿಗೆ ಅವರ ಧ್ವನಿಯೇ ಆತ್ಮವಾಗಿತ್ತು.
ವಿಜಯಭಾಸ್ಕರ್, ಜಿ.ಕೆ. ವೆಂಕಟೇಶ್, ರಾಜನ್–ನಾಗೇಂದ್ರ, ಉಪೇಂದ್ರ ಕುಮಾರ್, ಹಂಸಲೇಖ ಸೇರಿದಂತೆ ಕನ್ನಡದ ಶ್ರೇಷ್ಠ ಸಂಗೀತ ನಿರ್ದೇಶಕರೊಂದಿಗೆ ಅವರು ನೀಡಿದ ಹಾಡುಗಳು ಇಂದಿಗೂ ಸಂಗೀತಾಸಕ್ತರ ತುಟಿಗಳಲ್ಲಿ ಜೀವಂತವಾಗಿವೆ.
ಪ್ರೇಮಗೀತೆಗಳಾಗಲಿ, ಭಕ್ತಿಗೀತೆಗಳಾಗಲಿ, ಜಾನಪದ ಸೊಗಡಿನ ಹಾಡುಗಳಾಗಲಿ ಅಥವಾ ವಿರಹದ ಮೌನವನ್ನು ಹೇಳುವ ಮಧುರಗೀತೆಗಳಾಗಲಿ—ಜಾನಕಿ ಅವರ ಧ್ವನಿ ಪ್ರತಿಯೊಂದು ಭಾವಕ್ಕೂ ಹೊಸ ಅರ್ಥ ನೀಡುತ್ತಿತ್ತು.
ಇಳಯರಾಜಾ–ಜಾನಕಿ: ಸಂಗೀತದ ಅದ್ಭುತ ಜೋಡಿ
ತಮಿಳು ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕ ಇಳಯರಾಜಾ ಮತ್ತು ಎಸ್. ಜಾನಕಿ ಅವರ ಸಂಗಮ ಭಾರತೀಯ ಚಿತ್ರಸಂಗೀತದ ಅತ್ಯಂತ ಯಶಸ್ವಿ ಜೋಡಿಗಳಲ್ಲಿ ಒಂದು.
ಇಳಯರಾಜಾ ಅವರ ಸಂಗೀತದ ಸೂಕ್ಷ್ಮ ಭಾವಗಳನ್ನು ಜಾನಕಿ ತಮ್ಮ ಧ್ವನಿಯಲ್ಲಿ ಜೀವಂತಗೊಳಿಸುತ್ತಿದ್ದರು. ಈ ಜೋಡಿಯ ಅನೇಕ ಗೀತೆಗಳು ಇಂದಿಗೂ ದಕ್ಷಿಣ ಭಾರತದ ಸಂಗೀತಾಭಿಮಾನಿಗಳ ನಿತ್ಯ ಸಂಗಾತಿಗಳಾಗಿವೆ.
ಅದೇ ರೀತಿ ಎಂ.ಎಸ್. ವಿಶ್ವನಾಥನ್, ಕೆ.ವಿ. ಮಹಾದೇವನ್, ಚಕ್ರವರ್ತಿ, ಹಂಸಲೇಖ, ರಾಜನ್–ನಾಗೇಂದ್ರ, ವಿಜಯಭಾಸ್ಕರ್ ಮೊದಲಾದ ದಿಗ್ಗಜರ ಸಂಗೀತಕ್ಕೂ ಅವರು ವಿಶಿಷ್ಟ ಕಂಠಸಿರಿ ನೀಡಿದ್ದಾರೆ.
ಧ್ವನಿಯೊಳಗಿದ್ದ ಸಾವಿರ ರೂಪಗಳು
ಎಸ್. ಜಾನಕಿ ಅವರ ಗಾಯನದ ಅತ್ಯಂತ ದೊಡ್ಡ ವೈಶಿಷ್ಟ್ಯವೆಂದರೆ ಧ್ವನಿಯ ರೂಪಾಂತರ. ಒಂದು ಹಾಡಿನಲ್ಲಿ ಮಗು ಮಾತನಾಡಿದಂತೆ ಹಾಡಬಲ್ಲರು; ಮತ್ತೊಂದು ಹಾಡಿನಲ್ಲಿ ವಯಸ್ಸಾದ ಮಹಿಳೆಯ ಭಾವನೆ ಮೂಡಿಸುತ್ತಿದ್ದರು. ಕೆಲವೊಮ್ಮೆ ಗ್ರಾಮೀಣ ಹುಡುಗಿಯ ಮುಗ್ಧತೆ, ಮತ್ತೊಮ್ಮೆ ನಗರ ಮಹಿಳೆಯ ಆತ್ಮವಿಶ್ವಾಸ, ಇನ್ನೊಮ್ಮೆ ತಾಯಿಯ ಮಮತೆ, ಮತ್ತೆ ಭಕ್ತೆಯ ಪ್ರಾರ್ಥನೆ—ಪ್ರತಿ ಭಾವಕ್ಕೂ ಬೇರೆ ಧ್ವನಿಯನ್ನು ನೀಡುವ ಸಾಮರ್ಥ್ಯ ಅವರಿಗೆ ಮಾತ್ರ ಸಾಧ್ಯವಾಗಿತ್ತು. ಅವರ ಧ್ವನಿ ಕೇವಲ ಸಂಗೀತವಲ್ಲ; ಅದು ಅಭಿನಯವೂ ಆಗಿತ್ತು.
ಶ್ರಮ, ಶಿಸ್ತು ಮತ್ತು ಪರಿಪೂರ್ಣತೆಯ ಪ್ರತೀಕ
ಒಂದು ಹಾಡನ್ನು ಹಾಡುವ ಮೊದಲು ಅದರ ಸಾಹಿತ್ಯವನ್ನು ಸಂಪೂರ್ಣ ಅರ್ಥೈಸಿಕೊಳ್ಳುವುದು ಅವರ ಅಭ್ಯಾಸ. ಉಚ್ಚಾರಣೆಯಲ್ಲಿ ಯಾವುದೇ ತಪ್ಪು ಆಗಬಾರದು ಎಂಬ ಕಾರಣಕ್ಕೆ ಹೊಸ ಭಾಷೆಗಳನ್ನು ಸಹ ಕಲಿಯುತ್ತಿದ್ದರು.
ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಸಮಯಪಾಲನೆ, ಶಿಸ್ತು ಹಾಗೂ ಸಂಗೀತದ ಮೇಲಿನ ಅಪಾರ ಗೌರವದಿಂದ ಅವರು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.
ಸಂಗೀತ ನಿರ್ದೇಶಕರು ಅನೇಕ ಬಾರಿ ಹೇಳಿದ್ದೇನಂದರೆ, ಜಾನಕಿ ಹಾಡನ್ನು ಒಮ್ಮೆ ಅರ್ಥ ಮಾಡಿಕೊಂಡರೆ ಅದನ್ನು ಮತ್ತೆ ವಿವರಿಸುವ ಅಗತ್ಯವೇ ಇರಲಿಲ್ಲ.
ಪ್ರಶಸ್ತಿಗಳಿಗಿಂತ ದೊಡ್ಡದು ಜನರ ಪ್ರೀತಿ
ಎಸ್. ಜಾನಕಿ ಅವರು ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ವಿವಿಧ ರಾಜ್ಯ ಸರ್ಕಾರಗಳಿಂದ ಮೂವತ್ತಕ್ಕೂ ಅಧಿಕ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿಗಳು ಅವರಿಗೆ ಸಂದಿವೆ. ಆದರೆ ಅವರು ಎಂದಿಗೂ ಪ್ರಶಸ್ತಿಗಳಿಗಾಗಿ ಹಾಡಲಿಲ್ಲ. ಸಂಗೀತವೇ ಅವರ ಧ್ಯಾನ, ಗಾಯನವೇ ಅವರ ಪೂಜೆ.
ಪದ್ಮಭೂಷಣ ಪ್ರಶಸ್ತಿಯನ್ನು ಅವರು ವಿನಯಪೂರ್ವಕವಾಗಿ ನಿರಾಕರಿಸಿದ್ದು ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು. ತಮ್ಮ ಸಾಧನೆಗೆ ತಡವಾಗಿ ಗೌರವ ನೀಡಲಾಗಿದೆ ಎಂಬ ಭಾವನೆಯನ್ನು ಅವರು ಅತ್ಯಂತ ಗೌರವಯುತವಾಗಿ ವ್ಯಕ್ತಪಡಿಸಿದ್ದರು.
ಎಸ್.ಪಿ.ಬಿ.–ಜಾನಕಿ: ಮರೆಯಲಾಗದ ಸಂಗೀತಯಾನ
ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಎಸ್. ಜಾನಕಿ ಅವರ ಜೋಡಿ ಭಾರತೀಯ ಚಿತ್ರಸಂಗೀತದ ಅತ್ಯಂತ ಜನಪ್ರಿಯ ಗಾಯನ ಜೋಡಿಗಳಲ್ಲಿ ಒಂದು.
ಅವರಿಬ್ಬರು ಹಾಡಿದ ಸಾವಿರಾರು ಯುಗಲಗೀತೆಗಳು ಇಂದಿಗೂ ರೇಡಿಯೋಗಳಲ್ಲಿ, ಸಂಗೀತ ಕಾರ್ಯಕ್ರಮಗಳಲ್ಲಿ ಮತ್ತು ಅಭಿಮಾನಿಗಳ ನೆನಪುಗಳಲ್ಲಿ ಸದಾ ಕೇಳಿಸುತ್ತಿವೆ.ಇವರ ಗಾಯನದಲ್ಲಿ ಸ್ಪರ್ಧೆಯಿರಲಿಲ್ಲ; ಪರಸ್ಪರ ಪೂರಕವಾದ ಸಂಗೀತ ಮಾತ್ರ ಇತ್ತು.
ಸರಳತೆಯೇ ಅವರ ಅಲಂಕಾರ
ಅಸಂಖ್ಯಾತ ಪ್ರಶಸ್ತಿಗಳು, ಲಕ್ಷಾಂತರ ಅಭಿಮಾನಿಗಳು, ದೇಶವ್ಯಾಪಿ ಖ್ಯಾತಿ—ಇವೆಲ್ಲ ಇದ್ದರೂ ಎಸ್. ಜಾನಕಿ ಅತ್ಯಂತ ಸರಳ ಜೀವನ ನಡೆಸಿದರು.ವೇದಿಕೆಯಲ್ಲಿ ಎಂದಿಗೂ ಆಡಂಬರ ತೋರಲಿಲ್ಲ. ಸಂದರ್ಶನಗಳಲ್ಲಿಯೂ ತಮ್ಮ ಸಾಧನೆಗಿಂತ ಸಂಗೀತದ ಮಹತ್ವದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರು.ಹೊಸ ಗಾಯಕರಿಗೆ ಪ್ರೋತ್ಸಾಹ ನೀಡುವುದು, ಅವರನ್ನು ಮೆಚ್ಚುವುದು ಮತ್ತು ಸಂಗೀತವನ್ನು ಗೌರವಿಸುವಂತೆ ಸಲಹೆ ನೀಡುವುದು ಅವರ ಸ್ವಭಾವವಾಗಿತ್ತು.
ಹೊಸ ತಲೆಮಾರಿನಲ್ಲೂ ಜೀವಂತ ಧ್ವನಿ
ಡಿಜಿಟಲ್ ಸಂಗೀತದ ಯುಗದಲ್ಲಿಯೂ ಎಸ್. ಜಾನಕಿ ಅವರ ಹಾಡುಗಳ ಜನಪ್ರಿಯತೆ ಕಡಿಮೆಯಾಗಲಿಲ್ಲ. ಯೂಟ್ಯೂಬ್, ಸಂಗೀತ ಆ್ಯಪ್ಗಳು, ರಿಯಾಲಿಟಿ ಶೋಗಳು, ಸಾಮಾಜಿಕ ಜಾಲತಾಣಗಳು—ಎಲ್ಲೆಡೆ ಅವರ ಹಾಡುಗಳು ಹೊಸ ತಲೆಮಾರಿನ ಕಿವಿಗಳಿಗೆ ತಲುಪುತ್ತಲೇ ಇವೆ. ಇಂದಿನ ಅನೇಕ ಯುವ ಗಾಯಕ–ಗಾಯಕಿಯರು ತಮ್ಮ ಸಂಗೀತಯಾನದ ಪ್ರೇರಣೆಯಾಗಿ ಜಾನಕಿ ಅವರನ್ನು ಉಲ್ಲೇಖಿಸುತ್ತಾರೆ.
ಸಂಗೀತ ಲೋಕದ ಕಂಬನಿ
ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ದೇಶದಾದ್ಯಂತ ಸಂಗೀತ ಲೋಕದಲ್ಲಿ ಶೋಕದ ಛಾಯೆ ಆವರಿಸಿತು. ಚಿತ್ರರಂಗದ ಗಣ್ಯರು, ಸಂಗೀತ ನಿರ್ದೇಶಕರು, ಗಾಯಕ–ಗಾಯಕಿಯರು, ಸಾಹಿತ್ಯಿಕರು, ರಾಜಕೀಯ ನಾಯಕರು ಹಾಗೂ ಲಕ್ಷಾಂತರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಭಾವಪೂರ್ಣ ನಮನ ಸಲ್ಲಿಸಿದರು.
“ಒಂದು ಯುಗ ಮುಗಿಯಿತು”, “ಗಾನಕೋಗಿಲೆಯ ಧ್ವನಿ ಎಂದೆಂದಿಗೂ ಜೀವಂತ”, “ನಮ್ಮ ಜೀವನದ ನೆನಪುಗಳಿಗೆ ಹಿನ್ನೆಲೆ ಸಂಗೀತ ನೀಡಿದ ಧ್ವನಿ” ಎಂಬ ಮಾತುಗಳು ಎಲ್ಲೆಡೆ ಕೇಳಿಬಂದವು.
ಕನ್ನಡಿಗರ ನೆನಪಿನಲ್ಲಿ ಎಂದೆಂದಿಗೂ
ಕರ್ನಾಟಕದ ಮನೆಮನೆಗಳಲ್ಲೂ ಎಸ್. ಜಾನಕಿ ಅವರ ಹಾಡುಗಳು ಇಂದಿಗೂ ಬೆಳಗಿನ ಭಕ್ತಿಗೀತೆಗಳಾಗಿ, ಪ್ರೇಮಗೀತೆಗಳಾಗಿ, ಹಬ್ಬದ ಸಂಭ್ರಮವಾಗಿ, ಬದುಕಿನ ನೆನಪುಗಳಾಗಿ ಮೊಳಗುತ್ತಿವೆ.
ಅವರ ಧ್ವನಿ ಅನೇಕ ಕುಟುಂಬಗಳ ಭಾವನೆಗಳ ಒಂದು ಭಾಗವಾಗಿದೆ. ತಾಯಿಯ ನೆನಪಿನಲ್ಲಿ, ಪ್ರೀತಿಯ ನೆನಪಿನಲ್ಲಿ, ಬಾಲ್ಯದ ನೆನಪಿನಲ್ಲಿ, ಹಬ್ಬದ ಸಂಭ್ರಮದಲ್ಲಿ—ಎಲ್ಲೆಲ್ಲೂ ಜಾನಕಿ ಅವರ ಹಾಡುಗಳಿವೆ.
ಸ್ವರ ಮೌನವಾದರೂ…
ಕಾಲ ಬದಲಾಗಬಹುದು. ಸಂಗೀತದ ಶೈಲಿಗಳು ಬದಲಾಗಬಹುದು. ಹೊಸ ತಂತ್ರಜ್ಞಾನಗಳು ಬರಬಹುದು. ಆದರೆ ಭಾವನೆಗೆ ಜೀವ ತುಂಬುವ ಧ್ವನಿಗಳು ಅಪರೂಪ.
ಎಸ್. ಜಾನಕಿ ಅಂತಹ ಅಪರೂಪದ ಧ್ವನಿ. ಅವರ ದೇಹ ನಮ್ಮೊಂದಿಗಿಲ್ಲ. ಆದರೆ ಅವರು ಹಾಡಿದ ಪ್ರತಿಯೊಂದು ಗೀತೆ ಮುಂದಿನ ಹಲವು ತಲೆಮಾರುಗಳಿಗೂ ಬದುಕಿನ ಸಂಗಾತಿಯಾಗಿರುತ್ತದೆ. ಸಂಗೀತ ಇತಿಹಾಸವನ್ನು ಬರೆಯುವಾಗ ಅವರ ಹೆಸರನ್ನು ಬಿಟ್ಟು ಮುಂದೆ ಸಾಗುವುದು ಅಸಾಧ್ಯ. ಮರಣವು ಒಬ್ಬ ವ್ಯಕ್ತಿಯನ್ನು ಮಾತ್ರ ಕಸಿದುಕೊಳ್ಳಬಹುದು; ಅವರು ಸೃಷ್ಟಿಸಿದ ಕಲೆಯನ್ನು ಅಲ್ಲ.
ಎಸ್. ಜಾನಕಿ ಅವರ ಸ್ವರ ಇಂದು ಮೌನವಾಗಿದೆ. ಆದರೆ ಅವರು ಹಾಡಿದ ಸಾವಿರಾರು ಗೀತೆಗಳು ಭಾರತೀಯ ಸಂಗೀತಾಕಾಶದಲ್ಲಿ ಶಾಶ್ವತವಾಗಿ ಪ್ರತಿಧ್ವನಿಸುತ್ತಲೇ ಇರುತ್ತವೆ.
ಅವರ ಕಂಠಸಿರಿ ಕಾಲವನ್ನು ಮೀರಿದೆ.
ಅವರ ಸಂಗೀತ ತಲೆಮಾರುಗಳನ್ನು ಮೀರಿದೆ.
ಅವರ ನೆನಪು ಎಂದಿಗೂ ಅಳಿಯದು.
ಸ್ವರ ಮೌನವಾಗಿದೆ… ಆದರೆ ಸಂಗೀತ ಅಮರವಾಗಿದೆ. ಅದೇ ಎಸ್. ಜಾನಕಿ ಅವರ ಶಾಶ್ವತ ಪರಂಪರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243



