ಅಂತರಂಗ
ಧರ್ಮ ಮರ್ಮ – 06 : ಸ್ವರ್ಗದ ಆಸೆ, ನರಕದ ಭಯ
- ಯೋಗೇಶ್ ಮಾಸ್ಟರ್
ಯಾವುದೇ ಸ್ಥಾಪಿತ ಧರ್ಮವಾಗಲಿ, ಯಾವುದೇ ಮತದ ಕವಲುಗಳಾಗಲಿ ಹುಟ್ಟುವುದೇ ಸಂಘರ್ಷದ ಫಲವಾಗಿ. ಆಯಾ ಕಾಲಘಟ್ಟದ ಮೌಢ್ಯ, ಧಾರ್ಮಿಕ ಅಥವಾ ಸಾಂಪ್ರದಾಯಕ ವಿಧಿ ವಿಧಾನಗಳು ಸಮಂಜಸವಾಗಿಲ್ಲ ಎಂದು ಎತ್ತಿದ ದನಿಗಳು ಮತ್ತು ಪರ್ಯಾಯ ಮಾರ್ಗಗಳು ಹೊಸ ಧರ್ಮಗಳಾದವು ಅಥವಾ ಹೊಸ ಪಂಥಗಳಾದವು.
ಸ್ಥಾಪಿತ ವ್ಯಕ್ತಿ ಅಥವಾ ಸಮೂಹದ ಜೀವಿತಾವಧಿಯ ನಂತರದ ಕಾಲಘಟ್ಟಗಳಲ್ಲಿ ಅದೇ ಹೊಸ ಪಂಥದ ಸದಸ್ಯರೇ ಕಟ್ಟರ್ ಧೋರಣೆಗಳನ್ನು ಅನುಸರಿಸುತ್ತಾ, ತಮ್ಮದೇ ಪಂಥ ಅಥವಾ ಧರ್ಮ ಉದಸಿದ್ದ ವೈಶಾಲ್ಯದ ಕಾರಣವನ್ನು ಒಂದು ಚೌಕಟ್ಟಿಗೆ ಒಳಪಡಿಸಿ ಸಂಕುಚಿತಗೊಳಿಸುತ್ತಾರೆ.
ಹೊಸತರ ಆಕರ್ಷಣೆ ಅಥವಾ ಅದರಲ್ಲಿರುವ ವ್ಯಕ್ತಿಗಳ ಮೇಲಿನ ತಮ್ಮ ಗೌರವದಿಂದ ಪಂಥವನ್ನು ಪ್ರವೇಶಿಸಿದ್ದರೂ ಹಳೆಯ ಸಾಂಪ್ರಾದಯಕ ಮನಸ್ಥಿತಿಗಳು ಬದಲಾಗಿರುವುದಿಲ್ಲ. ಹಾಗಾಗಿ ಹಳೆಯ ಪಂಥದಲ್ಲಿದ್ದಂತಹ ಮನಸ್ಥಿತಿಗಳನ್ನು ಹೊಸದರಲ್ಲೂ ಮುಂದುವರಿಸುತ್ತಾರೆ. ಮುಖ್ಯವಾಗಿ ಅವರಿಗೆ ಸ್ಥಾಪಕರ ಮೂಲ ಆಶಯವೇ ಅವರಿಗೆ ತಿಳಿದಿರುವುದಿಲ್ಲ.
ಬೌದ್ಧ, ಜೈನ, ಕ್ರೈಸ್ತ, ಇಸ್ಲಾಂ, ಲಿಂಗಾಯತ ಮೊದಲಾದ ಧರ್ಮಗಳು, ಹಿಂದೂ ಜೀವನ ಪದ್ಧತಿಯ ಪಂಥಗಳು ಎಲ್ಲವೂ ಇದೇ ರೀತಿಯಲ್ಲಿ ಸೊರಗಿವೆ. ತಮ್ಮ ಮೂಲ ಆಶಯವನ್ನು ಜೀವಂತವಾಗಿರಿಸಿಕೊಳ್ಳಲು ವಿಫಲವಾಗಿವೆ. ಆದರೆ ಇಲ್ಲಿ ನಾವು ವಿಚಾರ ಮಾಡಬೇಕಾದ ಅಂಶವೆಂದರೆ ಸೋತಿರುವುದು ಅಥವಾ ವಿಫಲವಾಗಿರುವುದು ಧರ್ಮ ಅಥವಾ ಧರ್ಮದ ಸ್ಥಾಪಕರು ಅಲ್ಲ. ಆಯಾ ಧರ್ಮಗಳ ಧಾರ್ಮಿಕರು.
ಸಾಮಾನ್ಯವಾಗಿ ಧರ್ಮಗಳಲ್ಲಿ ಆಶಯದ ಅನುಷ್ಠಾನಕ್ಕೆ ಅಗತ್ಯವಿರುವ ನೇಮ, ನಿಯಮಗಳನ್ನು ಸಂಪ್ರದಾಯಗಳನ್ನಾಗಿಸಿ, ಅವುಗಳನ್ನು ಉಳಿಸಿಕೊಳ್ಳಲು ಅವುಗಳ ಬಗ್ಗೆ ಭಯ ಮತ್ತು ಆಸೆಗಳನ್ನು ಹುಟ್ಟುಹಾಕುವುದು ಆ ಸಂಪ್ರದಾಯಸ್ಥ ಮನಸ್ಥಿತಿಗಳ ಕೆಲಸ. ಭಯ ಮತ್ತು ಆಸೆಗಳನ್ನು ಹುಟ್ಟು ಹಾಕಲು ಅವರು ಬಳಸುವ ತಂತ್ರವೇ ಕಥನಕಲೆ. ಸಾಮಾನ್ಯವಾಗಿ ಕಥನ ನಿರೂಪಣೆಗಳಿಗೆ ಸಾಮಾನ್ಯರ ಮನಸ್ಸುಗಳು ಸೋಲುತ್ತವೆ.
ಅದರಲ್ಲೂ ಆ ನಿರೂಪಣೆಗಳು ಭಾವನಾತ್ಮಕವಾಗಿ ನಾಟಕೀಯವಾಗಿ ಪ್ರಸ್ತುತವಾಗಿಬಿಟ್ಟರಂತೂ ಅವರು ಸಂಪೂರ್ಣ ಮರುಳಾಗಿಬಿಡುತ್ತಾರೆ. ತಮ್ಮದೇ ಬದುಕಿನ ಪ್ರತಿಫಲನದಂತೆ ಆರಂಭವಾಗುವ ಆ ಕಥೆಗಳು ಯಾರದ್ದೋ ಆಗಿರುತ್ತವೆ. ಆದರೆ ನೋವು, ಸಂಕಟ, ಕಷ್ಟಗಳ ಸಾಮ್ಯತೆ ಇರುತ್ತವೆ. ಆ ಕಥೆಗಳಲ್ಲಿ ಅದ್ಯಾವುದೋ ಮಾರ್ಗದಿಂದ ಆ ಕಷ್ಟ ನೋವುಗಳು ಪರಿಹಾರವಾಗುತ್ತವೆ. ಹಾಗಾಗಿ ತಾವೂ ಅಂತೆಯೇ ವ್ರತವನ್ನು ಮಾಡಬೇಕು ಎಂದು ಜನ ತಿಳಿಯುತ್ತಾರೆ. ವ್ರತ ಎಂದರೇನೇ ನೇಮ. ನಿಯಮವನ್ನು ಅಚ್ಚುಕಟ್ಟಾಗಿ ಪಾಲಿಸುವುದು. ಇದರಿಂದ ಸಾಂಪ್ರದಾಯಕ ಚೌಕಟ್ಟುಗಳು ಬಲಗೊಳ್ಳುತ್ತಾ ಬರುವವು.
ಹಾಗೆಂದು ನೇಮ ನಿಷ್ಟೆಗಳನ್ನು ನಕಾರಾತ್ಮಕವಾಗಿ ನೋಡುವ ಅಗತ್ಯವಿಲ್ಲ. ಯಾವುದೇ ಸಂದರ್ಭದಲ್ಲಿ ಕೇಡಿನೊಂದಿಗೆ, ಅಸತ್ಯದೊಂದಿಗೆ, ಪರಿಸ್ಥಿತಿಗೆ ಅನುಗುಣವಾಗಿ ವ್ಯವಸ್ಥೆಯೊಂದಿಗೆ ರಾಜಿ ಮಾಡಿಕೊಳ್ಳದೇ ತನ್ನ ಜೀವನ್ಮುಖಿ ಧೋರಣೆಯನ್ನು, ಸತ್ಯ ನಿಷ್ಟತೆಯನ್ನು, ನ್ಯಾಯಪರತೆಯನ್ನು ಕಾದುಕೊಳ್ಳುತ್ತಾ ಬರುವುದು ಕೂಡ ನೇಮವೇ. ಅದೇ ಇಲ್ಲಿ ನಾವು ಸ್ಪಷ್ಟತೆಯನ್ನು ಕಂಡುಕೊಳ್ಳಬೇಕಾಗಿರುವುದು. ಯಾವ ನೇಮವನ್ನು ಮಾಡಿಕೊಂಡಿದ್ದೇವೆ.
ಅದರ ಆಶಯವೇನು? ಅದು ಯಾವ ಪರವಾಗಿದೆ? ಅದು ವಿಶಾಲಾರ್ಥದಲ್ಲಿ ಸಮಾಜಮುಖಿಯಾಗಿದೆಯೋ,ಜೀವನ್ಮುಖಿಯಾಗಿದೆಯೋ, ಜೀವಪರವಾಗಿದೆಯೋ, ತಮ್ಮದೇ ಪಂಥದ ಪ್ರತಿಷ್ಠೆ ಅಥವಾ ಅಹಂಭಾವದ ಧೋರಣೆಯಾಗಿದೆಯೋ, ಶ್ರೇಷ್ಟತೆಯ ವ್ಯಸನದಿಂದ ಕೂಡಿದೆಯೋ; ಇಂಥವನ್ನೆಲ್ಲಾ ತಿಳಿಯಬೇಕಾದರೆ ಒಬ್ಬಾತನಿಗೆ ವ್ಯಕ್ತಿಗತವಾಗಿ ಪರಾಮರ್ಶೆ ಮಾಡಿಕೊಳ್ಳುವ ಗುಣವಿರಬೇಕು. ತಾನೇ ನಿರ್ಧಾರಗಳನ್ನು ತೆಗೆದುಕೊಳ್ಳುವಂತಹ ಆತ್ಮವಿಶ್ವಾಸದಿಂದ ಕೂಡಿರುವ ಧೈರ್ಯವಿರಬೇಕು.
ತನ್ನ ಒಲವು, ನಿಲುವುಗಳಲ್ಲಿ ಸ್ಪಷ್ಟತೆ ಇದ್ದ ಪಕ್ಷದಲ್ಲಿ ಯಾವುದೇ ಧರ್ಮ, ಮತ ಅಥವಾ ಪಂಥದಲ್ಲಿದ್ದರೂ ಅದರ ಕೆಲವು ಅಂಶಗಳನ್ನು ಒಪ್ಪುವ ಅಥವಾ ನಿರಾಕರಿಸುವ, ಕೆಲವನ್ನು ಅಚ್ಚುಕಟ್ಟಾಗಿ ಪಾಲಿಸುವ ಅಥವಾ ತಿರಸ್ಕರಿಸುವ ನಿರ್ಧಾರಗಳನ್ನು ತಾನೇ ತೆಗೆದುಕೊಳ್ಳುತ್ತಾನೆ. ಅಲ್ಲದೇ ತನ್ನ ಧೋರಣೆ ಮತ್ತು ಆಶಯದ ಬಗ್ಗೆ ಸ್ಪಷ್ಟತೆಯನ್ನು ತಳೆದಿರುವ ಕಾರಣ ಕಾಳು ಹೊಟ್ಟುಗಳನ್ನು ಬೇರ್ಪಡಿಸುವ, ಅಗತ್ಯ ಮತ್ತು ಅನಗತ್ಯಗಳನ್ನು ಸ್ಪಷ್ಟವಾಗಿ ನೋಡುವಂತಹ ದೃಷ್ಟಿಯನ್ನು ಹೊಂದಿರುತ್ತಾರೆ.
ಇದರಿಂದಾಗಿಯೇ ಸ್ಥಾಪಿತ ಧರ್ಮಗಳಲ್ಲಿದ್ದು, ಅದೇ ಧರ್ಮದ ನೇಮ ನಿಷ್ಟೆ ಶ್ರದ್ಧೆಗಳನ್ನು ಹೊಂದಿದ್ದರೂ ಅವರು ಕ್ರಾಂತಿಕಾರಿಗಳಂತೆ ಕಾಣುತ್ತಾರೆ. ಏಕೆಂದರೆ ಬರಿಯ ಸಾಂಪ್ರದಾಯಿಕ ಮನಸ್ಥಿತಿಗಳ ಸಮೂಹವು ನಡೆದುಕೊಳ್ಳುವುದಕ್ಕಿಂದ ಭಿನ್ನವಾಗಿ ಇವರು ಕಾಣುತ್ತಾರೆ. ಅವರನ್ನು ಒಪ್ಪಬಹುದು, ನಿರಾಕರಿಸಬಹುದು, ನಿವಾರಿಸಿಯೇಬಿಡಬಹುದು. ಅದು ಸಾಂಪ್ರದಾಯಕ ಮನಸ್ಥಿತಿಯವರ ರೋಗಗ್ರಸ್ಥದ ಗಾಢತೆ ಮತ್ತು ಪ್ರಭಾವಗಳ ಮೇಲೆ ಆಧಾರಿತವಾಗಿರುತ್ತದೆ.
ಸ್ಪಷ್ಟವಾಗಿ ನಮಗೆ ಎಲ್ಲಾ ಧರ್ಮಗಳಲ್ಲೂ ಕಾಣಬರುವುದೇನೆಂದರೆ ಅದೇ ಧರ್ಮದ ನೇಮವನ್ನು ಆಚರಿಸುತ್ತಲೇ ಅದೇ ಧರ್ಮದ ಸಾಂಪ್ರದಾಯಿಕ ಧೋರಣೆಗಳ ಬಗ್ಗೆ ಧ್ವನಿ ಎತ್ತಿರುವಂತಹದ್ದು. ಆದರೆ ಇವರ ಸಂಖ್ಯೆ ಬಹಳ ಕಡಿಮೆ. ಕೆಲವೊಮ್ಮೆ ಇಲ್ಲವೇ ಇಲ್ಲ ಎಂದೆನಿಸುವಷ್ಟೂ ಕಡಿಮೆ. ಸ್ವರ್ಗ ನರಕಗಳ ಜನಕರು ಸಂಪ್ರದಾಯವಾದಿಗಳು ಮೂಲಭೂತ ಆಶಯವನ್ನು ಉಳಿಸಿಕೊಳ್ಳಲು ಹಾಕಿಕೊಟ್ಟಿರುವ ಮಾರ್ಗವನ್ನು ಬಿಡಲೇಬಾರದೆಂಬಂತಹ ವಿಚಾರಕ್ಕೆ ಬದ್ಧರಾಗಿರುವ ಕಾರಣದಿಂದ ಸಂಪ್ರದಾಯಕ್ಕೆ ಶರಣು ಹೋಗುವುದು. ಇತರರನ್ನು ಅದರ ತೆಕ್ಕೆಯಲ್ಲಿ ಸೆಳೆಯಲು ಅಥವಾ ಈಗಾಗಲೇ ಇರುವವರು ಬಿಟ್ಟು ಹೋಗದಿರಲು ಸ್ವರ್ಗದ ಗಳಿಕೆ ಮತ್ತು ನರಕದ ಭೀತಿಯನ್ನು ಇಟ್ಟಿರುವರು.
ಕನ್ನಡದ ನಾಗರಹೊಳೆ ಚಿತ್ರದಲ್ಲಿ “ಇಲ್ಲೇ ಸ್ವರ್ಗ, ಇಲ್ಲೇ ನರಕ ಮೇಲೆ ಇಲ್ಲ ಸುಳ್ಳು. ಹುಟ್ಟು ಸಾವು ಎರಡರ ಮಧ್ಯೆ ಮೂರು ದಿನದ ಬಾಳು” ಎಂಬ ಹಾಡು ಬಹಳ ಜನಪ್ರಿಯ. ಈ ಸ್ವರ್ಗ ಮತ್ತು ನರಕ ಸುಳ್ಳು ಎಂಬ ಧೋರಣೆ ತಳೆಯುವಂತಹ ಇಂತಹದ್ದೊಂದು ವಿಚಾರ ಬರಲು ಬಹಳಷ್ಟು ಕಾಲ ಬೇಕಾಯ್ತು. ಈಗ, ಈ ಕಾಲಘಟ್ಟದಲ್ಲಂತೂ ಸ್ವರ್ಗ ಮತ್ತು ನರಕದ ಭಯ ಬಹುತೇಕ ಯಾರಿಗೂ ಇಲ್ಲ. ಈಗ ಮಾಡಿದ್ದು ಈಗಲೇ ಎಂಬ ಮನಸ್ಥಿತಿಗೆ ತಲುಪಿಯಾಗಿದೆ. ಮರಣಾನಂತರದ ಜೀವನದಲ್ಲಿ, ದೇವರ ಸಾಮ್ರಾಜ್ಯದಲ್ಲಿ ಎಂದೇನೆಲ್ಲಾ ಯಾರಾದರೂ ಸತ್ತಾಗ ಹೇಳಬಹುದು.
ಅದು ಬರಿಯ ಆಗಿನ ನಂಬಿಕೆಯ ಉಳಿಕೆಯ ಮಾತಾಗಿದೆಯೇ ಹೊರತು ಯಾರಿಗೂ ಅದರ ಮೇಲೆ ಗಾಢವಾದ ನಂಬಿಕೆಯೇನೂ ಅಷ್ಟಿಲ್ಲ. ಕನಿಷ್ಟಪಕ್ಷ ಸಂಖ್ಯಾವಾರು ದೃಷ್ಟಿಯಿಂದಾದರೂ ಈ ಹಿಂದೆಲ್ಲಾ ಇರುವಷ್ಟು ಪ್ರಮಾಣದಲ್ಲಿ ಖಂಡಿತ ಇಲ್ಲ. ಆದರೆ, ಕಾಯುವ, ಮುನಿಯುವ ದೇವರ ಕಲ್ಪನೆ ಮಾತ್ರ ಜೀವಂತವಾಗಿದೆ. ಅದೂ ನಾವು ಮಾಡುವ ಭಕ್ತಿ ಅಥವಾ ದೇವರಿಗೆ ವಿಮುಖವಾಗಿ ಮಾಡುವಂತಹ ಕೆಲಸ “ದೋಸೆ ಮುಗುಚಿ ಹಾಕಿದಂತೆ” ಈಗಲೇ, ಈ ಒಂದು ಜನ್ಮದಲ್ಲೇ ಅನುಭವಕ್ಕೆ ಬರುತ್ತದೆ ಎಂಬ ನಂಬಿಕೆ ಗಾಢವಾಗಿದೆ. ಇದು ನೇರ ಕರ್ಮ ಸಿದ್ಧಾಂತದ ಪ್ರಭಾವ.
ಕರ್ಮ ಸಿದ್ಧಾಂತದ ಬೇರು
ಕರ್ಮ ಸಿದ್ಧಾಂತವು ಭಾರತದ ಕೊಡುಗೆ ಎಂದು ಬಹಳಷ್ಟು ವಿದ್ವಾಂಸರು ಹೇಳುವುದುಂಟು, ಹಾಗೆಯೇ ಸಾಮಾನ್ಯರಲ್ಲಿ ಒಂದು ನಂಬುಗೆ ಉಂಟು. ಆದರೆ ಹಾಗೇನೂ ಇಲ್ಲ. ಕರ್ಮ ಸಿದ್ಧಾಂತದ ಬೇರು ಪ್ರಪಂಚದ ಶ್ರದ್ಧಾಕ್ಷೇತ್ರದ ಮೂಲೆ ಮೂಲೆಯಲ್ಲಿದೆ. ಎಲ್ಲಾ ಧಾರ್ಮಿಕತೆಗಳಲ್ಲೂ, ಸಂಸ್ಕೃತಿ, ಆಧ್ಯಾತ್ಮಿಕತೆಗಳಲ್ಲೂ ಕರ್ಮ ಸಿದ್ಧಾಂತವು ಒಂದಿಲ್ಲೊಂದು ರೀತಿಯಲ್ಲಿ ನುಸುಳಿಕೊಂಡಿವೆ. ಆದರೆ ಈ ಕರ್ಮ ಸಿದ್ಧಾಂತದ ಮೂಲವನ್ನು ಮನಸ್ಸಿನ ಮೂಲದೊಂದಿಗೆ ಗುರುತಿಸಿದವನು ಮತ್ತು ಸಮೀಕರಿಸಿದವನು ಬುದ್ಧ.
ಭಗವತ್ಗೀತೆಯ ಕರ್ಮಯೋಗದಲ್ಲಿ ಮತ್ತು ಇತರ ಅಧ್ಯಾಯಗಳಲ್ಲಿ ಕರ್ಮಸಿದ್ಧಾಂತವನ್ನು ಬಹಳ ಸೂಕ್ಷ್ಮವಾಗಿ ಮತ್ತು ಯೋಗ್ಯವಾಗಿ, ಕೆಲವೊಮ್ಮೆ ಆಗ್ರಹಕ್ಕೊಳಗಾಗಿ ಚಿತ್ರಿಸಿದ್ದಾರೆ. ಅವು ನಿಜಕ್ಕೂ ಅಧ್ಯಯನ ಯೋಗ್ಯ. ಅದರಿಂದ ನಮ್ಮ ಪೂರ್ವಿಕರ ಒಲವು ನಿಲುವುಗಳು ಹಾಗೂ ಗೀತೆಯನ್ನು ತಮ್ಮ ಬಳಕೆಗೆ ತಂದುಕೊಳ್ಳುವಂತಹ ಮನಸ್ಥಿತಿಯವರ ಗುಪ್ತ ಆಶಯ ಅಥವಾ ಗೀಳುಗಳೂ ನಮಗೆ ಅರಿವಾಗುತ್ತಾ ಹೋಗುತ್ತದೆ. ಅಂತಹ ಅರಿವಿಗೆ ತೆರೆದುಕೊಳ್ಳುವುದರಿಂದಲೇ ಮಾರ್ಗಕ್ಕೆ ಸ್ಪಷ್ಟತೆಯೂ, ಗಮ್ಯಕ್ಕೆ ನಿಖರತೆಯೂ ಲಭ್ಯವಾಗುತ್ತದೆ.
ಅತ್ಯಂತ ಆಶ್ಚರ್ಯದ ಸಂಗತಿಯೆಂದರೆ ಸ್ವರ್ಗ ನರಕಗಳ ಪರಿಕಲ್ಪನೆ ಮತ್ತು ನರಕದಲ್ಲಿ ಇರುವಂತಹ ಒಂದು ಕೆಟ್ಟದಾದ ನದಿಯ ಪರಿಕಲ್ಪನೆಯು ವಿಶ್ವದ ಬಹುಪಾಲು ಎಲ್ಲಾ ಸಂಸ್ಕೃತಿಗಳಲ್ಲಿ ಇರುವುದು. ಹಾಗೆಯೇ ಬಹುಪಾಲು ಪ್ರಾಚೀನ ಧಾರ್ಮಿಕ ಅಥವಾ ಆಧ್ಯಾತ್ಮಿಕ ಸಿದ್ಧಾಂತಗಳಲ್ಲಿ ಮತ್ತು ಪೌರಾಣಿಕ ನಿರೂಪಣೆಗಳಲ್ಲಿ ಜಗತ್ತಿನ ಸೃಷ್ಟಿ ಮತ್ತು ಪ್ರಳಯಗಳ ಬಗ್ಗೆ ಜಿಜ್ಞಾಸೆಗಳಿವೆ. ಅಂದರೆ ಎಲ್ಲರೂ ಒಂದು ಉತ್ಪತ್ತಿ ಮತ್ತು ನಾಶದ ಬಗ್ಗೆ ಅವಧಾನವನ್ನು ಹೊಂದಿದ್ದು, ಪ್ರಸ್ತುತ ಸ್ಥಿತಿಯಲ್ಲಿ ಹೆಚ್ಚಿನ ಮಟ್ಟದ ಗಮನ ನೀಡುವ ಅಭಿಲಾಷೆಯನ್ನು ಹೊಂದಿದ್ದರು.
ಅದರಿಂದಾಗಿಯೇ ತಮ್ಮ ಕಣ್ಣಿಗೆ ಕಾಣುವ ಜೀವ ಸೃಷ್ಟಿಯ ಹಿಂದಿನದುರ ಬಗ್ಗೆ ಮತ್ತು ಜೀವ ನಾಶದ ನಂತರದ ಬಗ್ಗೆ ಅತೀವ ಆಸಕ್ತಿಯನ್ನೂ ಹೊಂದಿದ್ದಲ್ಲದೇ, ಅವರ ಕಾಲಘಟ್ಟದ ದಾರ್ಶನಿಕರು, ಬುದ್ಧಿವಂತರು, ಸೂಕ್ಷ್ಮವಿಚಾರವಾದಿಗಳು ಹೇಳುವುದನ್ನು ಶ್ರದ್ಧಾ ಭಕ್ತಿಗಳಿಂದ ಕೇಳಿದ್ದೇ ಅಲ್ಲದೇ ಒಪ್ಪಿರುತ್ತಿದ್ದರು.
ಜಡ್ಜ್ಮೆಂಟ್ ಡೇ ಸ್ಪಷ್ಟವಾಗಿ ದಾಖಲಾಗಿರುವ ಯಾವುದೇ ಧಾರ್ಮಿಕ ಗ್ರಂಥಗಳಲ್ಲಿ ತೀರ್ಮಾನದ ದಿನ (ಜಡ್ಜ್ಮೆಂಟ್ ಡೇ) ಎಂಬುದು ಜಗತ್ತಿಗೂ ಇರುತ್ತದೆ. ಹಾಗೆಯೇ ಪ್ರತಿಯೊಬ್ಬ ವ್ಯಕ್ತಿಗೂ ಕೂಡ ಆ ಜಡ್ಜ್ಮೆಂಟ್ ಅವಧಿ ಬಂದಿರುತ್ತದೆ. ಅದೇ ಅವನ ಪಾಪ ಪುಣ್ಯಗಳ ವಿಚಾರಣಾ ದಿನವೂ ಹೌದು.
ಅವನು ಮಾಡಿರುವ ಪಾಪ ಪುಣ್ಯಗಳ ಅನುಸಾರವಾಗಿ ಅವನು ಸ್ವರ್ಗಕ್ಕೆ ಅಥವಾ ನರಕಕ್ಕೆ ಹೋಗುವನು. ಹಾಗೆಯೇ ಎರಡನ್ನೂ ತೂಕ ಮಾಡಿ ನೋಡಲು ಮಾಡಿರುವ ಪಾಪಕ್ಕಿಂತ ಪುಣ್ಯವೇ ಹೆಚ್ಚಾಗಿದ್ದ ಪಕ್ಷದಲ್ಲಿ ಸ್ವರ್ಗಕ್ಕೆ ಹೋಗುವನು. ಕೆಲವೊಮ್ಮೆ ಮಾಡಿರುವ ಪಾಪಕ್ಕೆ ಶಿಕ್ಷೆ ಅನುಭವಿಸುವಂತೆ ಮಾಡಿ, ಆ ಪಾಪಕರ್ಮದ ಫಲವನ್ನು ಕಳೆದುಕೊಂಡು ಸ್ವರ್ಗಕ್ಕೆ ಕಳುಹಿಸಲಾಗುವುದು. ಕೆಲವೊಮ್ಮೆ ಮಾಡಿದ ಪಾಪಗಳನ್ನೆಲ್ಲಾ ಒಮ್ಮಿಂದೊಮ್ಮೆಲೇ ಶುದ್ಧಗೊಳಿಸಿ, ಆತ್ಮವನ್ನು ಶುದ್ಧಾತ್ಮವನ್ನಾಗಿಸಿ ಏಕ್ದಂ ಸ್ವರ್ಗಕ್ಕೆ ಕಳುಹಿಸುವಂತಹ ಕೆಲವು ಸೂಕ್ಷ್ಮ ತಂತ್ರಗಾರಿಕೆಗಳು ಉಂಟು. ಅವೇನೇ ಇರಲಿ.
ಈ ಪಾಪ ಪುಣ್ಯ ಮತ್ತು ಸ್ವರ್ಗ ನರಕಗಳ ಪರಿಕಲ್ಪನೆಯು ಮನುಷ್ಯನನ್ನು ಅತ್ಯಂತ ಸುದೀರ್ಘ ಕಾಲ, ಸಾವಿರಾರು ವರ್ಷಗಳ ಕಾಲ ಆಳಿದೆ ಎಂಬುದು ಸುಳ್ಳಲ್ಲ. ಈ ಪರಿಕಲ್ಪನೆಗಳನ್ನು ಒಮ್ಮಿಂದೊಮ್ಮೆಲೇ ಸುಳ್ಳು ಎಂದು ತಳ್ಳಿ ಹಾಕಿಬಿಡುವುದರಿಂದ ಸಮಸ್ಯೆಯೇ ಇಲ್ಲ, ಕೆಲಸವೇ ಇಲ್ಲ. ಆದರೆ, ಇಂತಹದ್ದೊಂದು ಸುಳ್ಳು ಏಕಾಗಿ ಮತ್ತು ಹೇಗೆ ಇಷ್ಟೂ ಕಾಲ, ಅಷ್ಟು ವ್ಯಾಪಕವಾಗಿ ಸಮೂಹಗಳಲ್ಲಿ ಜೀವಂತವಾಗಿತ್ತು, ಅವರನ್ನು ಆಳುತ್ತಿತ್ತು, ಅವರ ಮನಸ್ಸುಗಳನ್ನು, ಬದುಕುಗಳನ್ನು, ಶಕ್ತಿಗಳನ್ನು ತನ್ನ ಅಧೀನದಲ್ಲಿಟ್ಟುಕೊಂಡಿತ್ತು ಎಂದು ವಿಚಾರಿಸಲು ಹೋದರೆ ಬಹಳ ಸೂಕ್ಷ್ಮವಾದ ವಿಷಯಗಳು ಅನಾವರಣಗೊಳ್ಳುತ್ತಾ ಹೋಗುವವು.
ಅದೇನೇ ಆಗಲಿ, ಒಬ್ಬ ವ್ಯಕ್ತಿಯ ಜೀವನಾವಧಿಯಲ್ಲಿ ವಿಕಾಸದ ಘಟ್ಟಗಳನ್ನು ಗುರುತಿಸಿಕೊಳ್ಳುತ್ತಾ, ಹಿಂದಕ್ಕೆ ನಡೆಯುತ್ತಾ ಭೂತದಲ್ಲಿ ಆದ ಪ್ರಭಾವಗಳನ್ನು ಗುರುತಿಸುವಷ್ಟೇ ಸುಂದರವಾದ ಮತ್ತು ಅಗತ್ಯವಾದ ಕೆಲಸ ಇದಾಗಿರುತ್ತದೆ. ಸ್ವರ್ಗ ಮತ್ತು ನರಕಗಳ ಪರಿಕಲ್ಪನೆಗಳನ್ನು ಉಪಚರಿಸಿದ ಬಗೆಗಳಲ್ಲಿ ನಾನಾ ರೀತಿಗಳಿವೆ. ಆದರೆ ಪ್ರಾಚೀನ ಸಮಾಜಗಳು ಅವನ್ನು ಸ್ವೀಕರಿಸಿದ್ದವು. ಅವನ್ನು ಗ್ರಹಿಸುತ್ತಿದ್ದ ರೀತಿಗಳಲ್ಲಿ ಮತ್ತು ಪರಿಗಣಿಸುತ್ತಿದ್ದ ಮತಿಗಳಲ್ಲಿ ವೈರುಧ್ಯತೆಗಳಿರುತ್ತಿದ್ದವು.
ನಾನು ಸಣ್ಣವನಿರುವಾಗ ಅನೇಕ ವಿಷಯಗಳನ್ನು ಕೇಳುತ್ತಿದ್ದೆ. “ಯಾರಾದರೂ ಸತ್ತಾಗ ಅತಿಯಾಗಿ ಅಳಬಾರದು. ನಮ್ಮೆಲ್ಲರ ಕಣ್ಣೀರು ಸತ್ತವರ ಸ್ವರ್ಗಾವರೋಹಣಕ್ಕೆ ಪ್ರವಾಹವಾಗಿ ಅಡ್ಡ ಬಂದು ತೊಡಕಾಗುವುದು.”
“ವಿಚಾರಣಾ ಸ್ಥಳದಿಂದ (ಯಮಲೋಕ) ಸ್ವರ್ಗಕ್ಕೆ ಹೋಗುವ ದಾರಿ ಬಹಳ ಸೂಕ್ಷ್ಮ. ಬೆಕ್ಕು ಅದನ್ನು ಕಡಿದು ಹಾಕಿದರೆ, ನಾಯಿಯು ತನ್ನ ಬಾಲದಿಂದ ದಾರಿಯು ತುಂಡಾಗದಂತೆ ಅಥವಾ ನಡೆಯುವಿಕೆಗೆ ತೊಡಕಾಗದಂತೆ ನೋಡಿಕೊಳ್ಳುತ್ತದೆ.”
“ಸತ್ತಮೇಲೆ ಮಾಡುವ ಸರಿಯಾದ ಸಂಸ್ಕಾರದಿಂದ, ಅವರ ಹೆಸರಿನಲ್ಲಿ ಮಾಡುವ ದಾನ ಧರ್ಮಗಳ ಪುಣ್ಯ ಸಂಚಯದಿಂದ ವಿಚಾರಣೆಯಲ್ಲಿರುವ ಮೃತವ್ಯಕ್ತಿಯ ಖಾತೆಗೆ ಪುಣ್ಯವು ಜಮಾಆಗಿ ಅವನು ಸ್ವರ್ಗಕ್ಕೆ ಹೋಗುವಂತಹ ಅರ್ಹತೆಗಳನ್ನು ಪಡೆಯುತ್ತಾನೆ.”
“ದೇವಸ್ಥಾನದಲ್ಲಿ ದೇವರ ದುಡ್ಡನ್ನು ಕದಿಯುವವನು, ದೈವೀಕಾರ್ಯದಲ್ಲಿ ವಂಚಿಸಿ ಧನ ಸಂಗ್ರಹ ಮಾಡುವವನು ಮುಂದಿನ ಜನ್ಮದಲ್ಲಿ ನಾಯಿಯಾಗುತ್ತಾನೆ.” (ನಾನು ಸಣ್ಣವನಿದ್ದಾಗ ಇದನ್ನು ತಿಳಿದ ಮೇಲೆ ಬಹಳ ಗಂಭೀರವಾಗಿ ನಂಬಿದ್ದೇ ಅಲ್ಲದೇ ಎದುರಾಗುವ ಪ್ರತಿ ನಾಯಿಗೂ ಯಾವ ದೇವಸ್ಥಾನದ ಪೂಜಾರಿಯಾಗಿದ್ದೆ? ಯಾವ ದೇವರ ಅರ್ಚಕನಾಗಿದ್ದೆ? ಎಂದು ವಿಚಾರಿಸುತ್ತಿದ್ದೆ.)
“ಕಬ್ಬಿಣವನ್ನು ಕದ್ದವನು ಮುಂದಿನ ಜನ್ಮದಲ್ಲಿ ಬಿಳಿಯ ಮಚ್ಚೆಗಳನ್ನು ಹೊಂದಿರುವಂತಹ ತೊನ್ನಿನ ರೋಗವನ್ನು ಪಡೆಯುತ್ತಾನೆ.” ಇತ್ಯಾದಿ. ಈ ಬಗೆಯ ಮಾತುಗಳೆಲ್ಲದರ ಹಿಂದೆ ಕಾರಣಗಳಿವೆ, ಪ್ರಭಾವಗಳಿವೆ ಮತ್ತು ಉದ್ದೇಶಗಳೂ ಸ್ಪಷ್ಟವಾಗಿವೆ.
(ಮುಂದುವರಿಯುವುದು)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ
~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ
ಅಂಬೇಡ್ಕರ್ ಅವರು ಭಾರತದ ಚರಿತ್ರೆಗಳ ರಚನೆಗೆ ಪ್ರಾಯೋಗಿಕ ಉಪಕರಣಗಳನ್ನು (ಎಂಪರಿಕಲ್ ಟೂಲ್ಸ್) ಬಳಸಿರುತ್ತಾರೆ. ಆದರೆ ಈ ಎಲ್ಲ ಉಪಕರಣಗಳು ಕೇವಲ ಚರಿತ್ರೆಯ ರಚನೆಗೆ ಮಾತ್ರ ಕಾರಣವಾಗದೆ, ಸಮೂಹಗಳ ಸಾಮಾಜಿಕ-ರಾಜಕೀಯ ಸಮಾನತೆ, ಸ್ವಾಯತ್ತತೆಯನ್ನೂ ಕಲ್ಪಿಸುವುದಕ್ಕೂ ಬದ್ಧವಾಗಿರುತ್ತವೆ. ಆರ್ಥಿಕತೆಯ ನಿಲುವುಗಳ ಮೂಲಕ ಭಾರತದ ಚರಿತ್ರೆಯನ್ನು ವ್ಯಾಖ್ಯಾನಿಸುವ ಕ್ರಮಗಳನ್ನು ಅಂಬೇಡ್ಕರ್ ಅವರು ಅತ್ಯಂತ ಕಟುವಾಗಿಯೇ ವಿಮರ್ಶಿಸುತ್ತಾರೆ.
ಸಮಾಜವಾದಿಗಳು ಮತ್ತು ಮಾರ್ಕ್ಸ್ವಾದಿಗಳು ಆರ್ಥಿಕತೆಯ ನೆಲೆಯಿಂದ ಭಾರತದಲ್ಲಿ ಚರಿತ್ರೆಗಳನ್ನು ನಿರ್ವಚಿಸುವ ಪ್ರಯತ್ನವನ್ನು ಮಾಡಿರುತ್ತಾರೆ ಎನ್ನುವುದನ್ನು ಇಲ್ಲಿ ಗಮನಿಸಬಹುದು. ಭಾರತದ ಚರಿತ್ರೆಗಳಲ್ಲಿ ದಾಖಲಾಗಿರುವ ಯಾವುದೇ ರಾಜಕೀಯ ಕ್ರಾಂತಿ/ಹೋರಾಟಗಳು ಯಾವಾಗಲೂ ಸಾಮಾಜಿಕ-ಧಾರ್ಮಿಕ ಕ್ರಾಂತಿಗಳಿಂದ ಮಾತ್ರ ಕೂಡಿರುವುದನ್ನೂ ಅಂಬೇಡ್ಕರ್ ಅವರು ಇಲ್ಲಿ ಗುರುತಿಸುತ್ತಾರೆ. ಭಾರತದಲ್ಲಿ ಅಷ್ಟೆಯಲ್ಲ, ಅಮೆರಿಕ, ಯುರೋಪ್, ಅರೇಬಿಯಾ ದೇಶಗಳಲ್ಲಿಯೂ ಇದೇ ಬಗೆಯ ಚರಿತ್ರೆಯ ನಿರ್ಮಾಣವು ನಡೆದಿರುವುದನ್ನು ನೋಡುತ್ತೇವೆ. ಮತ್ತು ಶಿವಾಜಿ, ಚಂದ್ರಗುಪ್ತ ಮೌರ್ಯ, ಸಿಖ್ ರಾಜ್ಯಗಳ ರಾಜರುಗಳಿಂದ ಕೈಗೊಳ್ಳಲಾದ ರಾಜಕೀಯ ಕ್ರಾಂತಿಗಳು, ಬುದ್ಧ, ಗುರು ನಾನಕ್ ಹಾಗೂ ಇತರ ಸಾಧು ಸಂತರ ಸಾಮಾಜಿಕ, ಧಾರ್ಮಿಕ ಚಳವಳಿಗಳ ಮೂಲಕ ಕಂಡಿರುತ್ತೇವೆ.
ಆದರೆ ಪರಿಣಾಮಗಳಲ್ಲಿ ಅಗಾಧವಾದ ವ್ಯತ್ಯಾಸಗಳನ್ನೂ ನಾವು ಇವತ್ತು ಕಾಣುತ್ತೇವೆ ಹಾಗೂ ಭಾರತದ ಚರಿತ್ರೆಗಳನ್ನು ಕುರಿತು ಬ್ರಿಟಿಶರು ತಾಳಿರುವ ಧೋರಣೆಗಳು ಅತ್ಯಂತ ದೋಷಪೂರಿತ ನೆಲೆಗಳಿಂದ ಕೂಡಿದ್ದವು ಎಂಬುದನ್ನು ಅಂಬೇಡ್ಕರ್ ಅವರು ಅತ್ಯಂತ ಬಲವಾಗಿ ನಂಬಿದ್ದರು. ಮತ್ತು ಅವುಗಳನ್ನು ಬಿಡಿಸಿ ತೋರಿಸುವುದಕ್ಕೆ ಬೇಕಾದ ಪರಿಕರಗಳನ್ನೂ ತಮ್ಮ ಅಧ್ಯಯನಗಳ ಮೂಲಕ ರೂಪಿಸಿರುತ್ತಾರೆ.
ಭಿನ್ನ ಸಂವೇದನೆಯ ಮೂಲಕ ಭಾರತವನ್ನು ಗ್ರಹಿಸಿದ ಅಂಬೇಡ್ಕರ್ ಚಿಂತನೆಗಳು ಹಾಗೂ ಸಾಮಾಜಿಕವಾಗಿ ಅತ್ಯಂತ ಸೂಕ್ಷ್ಮ ನಿಲುವುಗಳಾಗಿ ಯಾವತ್ತಿಗೂ ಚರ್ಚೆಗೆ ಒಳಪಡುತ್ತಿರುವ ‘ಅಲ್ಪಸಂಖ್ಯಾತರು’ ‘ಲಿಂಗ’ ಹಾಗೂ ‘ಜಾತಿ’ಗಳ ನಡುವೆ ಒಂದು ಬಗೆಯ ತಾರ್ಕಿಕ ನಂಟನ್ನು ಏರ್ಪಡಿಸಬಹುದು. ರಾಷ್ಟ್ರೀಯತೆಯ ಜೊತೆಗೆ ಅಲ್ಪಸಂಖ್ಯಾತರು, ಲಿಂಗ ಹಾಗೂ ಜಾತಿಯ ವಿನ್ಯಾಸಗಳನ್ನು ಇಟ್ಟು ನೋಡಿದರೆ, ರಾಷ್ಟ್ರೀಯತೆ ಎನ್ನುವುದು ಕೇವಲ ಏಕಾಕೃತಿಯ ನೆಲೆಯನ್ನಾಗಿ ಬಿಂಬಿಸಲಾಗುತ್ತದೆ. ಇಂತಹ ಏಕಾಕೃತಿ ನಿಲುವುಗಳನ್ನು ಭಗ್ನ ಮಾಡುವ ಅತ್ಯಂತ ಪ್ರಖರವಾದ ಚಿಂತನೆಗಳನ್ನು, ಅಲ್ಪಸಂಖ್ಯಾತ, ಲಿಂಗ, ಜಾತಿ ಮತ್ತು ಧರ್ಮಗಳ ವಿನ್ಯಾಸಗಳನ್ನು ನೆಲೆಯಾಗಿಸಿಕೊಂಡು ಅಂಬೇಡ್ಕರ್ ಅವರು ಚಿಂತಿಸಿರುತ್ತಾರೆ. ಹಾಗೂ ಈ ಚಿಂತನೆಗಳ ಮುಖೇನವೇ ಸಾಂಸ್ಕೃತಿಕ-ಚಾರಿತ್ರಿಕ ಬಹುಳತೆಯನ್ನು ಕಂಡರಿಸುವ ದಾರಿಗಳನ್ನೂ ಅವರ ಚಿಂತನೆಗಳಲ್ಲಿ ಕಾಣಬಹುದಾಗಿದೆ.
ಅಂದರೆ ಅಂಬೇಡ್ಕರ್ ಅವರ ಸೈದ್ಧಾಂತಿಕ ತಿಳಿವಿನ ಚೌಕಟ್ಟನ್ನು ಅರಿಯಬೇಕೆಂದರೆ, ಅವರು ಫ್ರೆಂಚ್ ಕ್ರಾಂತಿಯಿಂದ ಎರವಲು ಪಡೆದಿರುವ ಸಾಮಾಜಿಕ-ರಾಜಕೀಯ ‘ತ್ರಿಕೂಟ’ (ಟ್ರಿನಿಟಿ) ಪರಿಕಲ್ಪನೆಗಳನ್ನು ಇಲ್ಲಿ ನಾವು ಪರಿಗಣನೆಗೆ ತೆಗೆದುಕೊಳ್ಳುವ ಅಗತ್ಯವಿದೆ. ‘ಸ್ವಾತಂತ್ರ್ಯ, ಸಮಾನತೆ ಹಾಗೂ ಸಹೋದರತ್ವ’ ಎಂಬುದಾಗಿ ಈ ತ್ರಿಕೂಟ ಪರಿಕಲ್ಪನೆಗಳನ್ನು ಗುರುತಿಸಬಹುದು.
ಫ್ರೆಂಚ್ ಕ್ರಾಂತಿಯ ನಿಲುವುಗಳನ್ನು ಕುರುಡಾಗಿ ಅನುಕರಿಸುವುದಾಗಲೀ ಇಲ್ಲವೇ ಆ ಕ್ರಾಂತಿಯ ನಿಲುವುಗಳನ್ನು ಯಥಾವತ್ತಾಗಿ ಪಾಲಿಸುವುದಾಗಲೀ ಅಂಬೇಡ್ಕರ್ ಅವರ ಉದ್ದೇಶವಾಗಿರಲಿಲ್ಲ. ಆದರೆ ಈ ಕ್ರಾಂತಿಯಿಂದ ಪ್ರೇರಣೆಯನ್ನು ಮಾತ್ರ ಪಡೆದುಕೊಂಡಿರುತ್ತಾರೆ. ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳನ್ನು ಮರುಪರೀಕ್ಷಿಸುವುದು ಅಷ್ಟೆಯಲ್ಲದೆ ಅವುಗಳನ್ನು ಮರು ವಿನ್ಯಾಸಗೊಳಿಸಿರುವುದನ್ನೂ ಇಲ್ಲಿ ನೋಡಬಹುದು. ಅಂದರೆ, ಫ್ರೆಂಚ್ ಕ್ರಾಂತಿಯ ಸನ್ನಿವೇಶಕ್ಕಿಂತ ಮಿಗಿಲಾದ ಸಾಮಾಜಿಕ-ಸಾಂಸ್ಕೃತಿಕ ಆಯಾಮ ಮತ್ತು ಅರ್ಥಗಳನ್ನು ಅಂಬೇಡ್ಕರ್ ಅವರು ಈ ಪರಿಕಲ್ಪನೆಗಳಿಗೆ ಕೊಟ್ಟಿರುತ್ತಾರೆ.
ಜಾತಿಕೇಂದ್ರಿತವಾದ ಭಾರತ ದೇಶವು ವರ್ಗಕೇಂದ್ರಿತವಾದ ಫ್ರೆಂಚ್ ದೇಶಕ್ಕಿಂತ ಸಹಜವಾಗಿಯೇ ಭಿನ್ನವಾಗಿದೆ. ಈ ಸಾಮಾಜಿಕ ವಿನ್ಯಾಸಕ್ಕೆ ಅನುಗುಣವಾಗಿಯೇ ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳ ತಾತ್ವಿಕತೆಯನ್ನು ರೂಪಿಸಿರುತ್ತಾರೆ. ಸಮೂಹಗಳ ಒಳ್ಳೆಯ ಬದುಕಿಗೆ ಈ ತ್ರಿಕೂಟಗಳು ಅತ್ಯಂತ ಅವಶ್ಯವೆಂಬುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು (ರೊಡ್ರಿಗಸ್, 2002). ಚರಿತ್ರೆಯ ನಿರ್ಮಾಣದಲ್ಲಿ ಹಾಗೂ ಸಾಮಾಜಿಕ ಬದುಕುಗಳನ್ನು ಕಟ್ಟಿಕೊಳ್ಳುವಲ್ಲಿ ಈ ಸಮಾನತೆ, ಸ್ವಾತಂತ್ರ್ಯ ಹಾಗೂ ಸಹೋದರತ್ವವು ಎಷ್ಟೊಂದು ಮಹತ್ವದ ಪಾತ್ರವನ್ನು ವಹಿಸಬಲ್ಲವು ಎನ್ನುವುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು.
ಅಂಬೇಡ್ಕರ್ ಅವರು ಗಾಂಧಿ ಮತ್ತು ಕಾಂಗ್ರೇಸ್ ಸಂಘಟನೆಯನ್ನು ಕುರಿತು ‘ವ್ಹಾಟ್ ಗಾಂಧಿ ಆ್ಯಂಡ್ ಕಾಂಗ್ರೇಸ್ ಹ್ಯಾವ್ ಡನ್ ಟು ದ ಅನ್ಟಚೇಬಲ್ಸ್’ ಎಂಬ ಬರಹದಲ್ಲಿ ಸಮೂಹಗಳ ಏಳ್ಗೆಯ ನೆಲೆಯಿಂದ ವಿಶ್ಲೇಷಣೆ ಮಾಡಿರುತ್ತಾರೆ. ಅಂದರೆ ಸ್ವಾತಂತ್ರ್ಯ, ಸಮಾನತೆ ಮತ್ತು ಸಹೋದರತ್ವದಂತಹ ತ್ರಿಕೂಟ ಕಲ್ಪನೆಗಳು ಸಮೂಹಗಳ ಅಸ್ತಿತ್ವ, ಅಸ್ಮಿತೆ ಹಾಗೂ ಪ್ರಜ್ಞೆಯನ್ನು ಕುರಿತು ಮಾತ್ನಾಡಿದರೆ, ಕಾಂಗ್ರೆಸ್ ಸಂಘಟನೆಯು ರಾಷ್ಟ್ರೀಯತೆಯ ಕಲ್ಪನೆಯ ಬಗೆಗೆ ಮಾತ್ರ ಹೆಚ್ಚು ಕಾಳಜಿಯನ್ನು ವಹಿಸಿರುವುದನ್ನು ಇಲ್ಲಿ ನೋಡುತ್ತೇವೆ. ಆದರೆ ಗಾಂಧೀಜಿಯವರು ಸಾಂಪ್ರದಾಯಿಕ ರಾಷ್ಟ್ರೀಯತೆಯನ್ನು ಕುರಿತು ಯೋಚಿಸಿದರೆ, ನೆಹರೂ ಅವರು ಸಮಾಜವಾದದ ನೆಲೆಯಿಂದ ರಾಷ್ಟ್ರೀಯತೆಯ ಪ್ರಜ್ಞೆಯನ್ನು ರೂಪಿಸುವ ತುಡಿತವನ್ನು ಹೊಂದಿದ್ದರು. ಒಟ್ಟಾರೆ ರಾಷ್ಟ್ರೀಯತೆ ಬಗೆಗಿನ ನಿಲುವುಗಳಲ್ಲಿ ಬಹುಸಮಾಜಗಳು ಎದುರಿಸುವ ಸಾಮಾಜಿಕ-ರಾಜಕೀಯ ಬಿಕ್ಕಟ್ಟುಗಳು ಮಹತ್ವವನ್ನು ಪಡೆಯದೆ, ಕೇವಲ ರಾಷ್ಟ್ರ ಮತ್ತು ರಾಷ್ಟ್ರೀಯತೆಯ ಕುರಿತಾದ ಮೌಲ್ಯಗಳು ಮಾತ್ರ ಮುಂಚೂಣಿಗೆ ಬರುತ್ತವೆ.
ಹಾಗಾಗಿ ಭಾರತದ ಚರಿತ್ರೆಗಳಲ್ಲಿ ರಾಷ್ಟ್ರ, ರಾಷ್ಟ್ರ ಪ್ರಭುತ್ವ ಹಾಗೂ ರಾಷ್ಟ್ರೀಯತೆಗಳ ಮಹತ್ವ ಮತ್ತು ಹಿರಿಮೆಯ ಬಗೆಗಿರುವ ಕಾಳಜಿಗಳು, ಸಾಮಾಜಿಕ ಚರಿತ್ರೆಯನ್ನು ಬಿಂಬಿಸುವಲ್ಲಿ ಗೈರು ಆಗಿರುತ್ತವೆ. ಅಂಬೇಡ್ಕರ್ ಅವರು ಇಂತಹ ಚಾರಿತ್ರಿಕ ಲೋಪಗಳನ್ನು ಗುರುತಿಸುವ ಜೊತೆಗೆ, ರಾಜಕೀಯ ಪ್ರೇರಿತವಾದ ಚರಿತ್ರೆಗಳಿಗಿಂತ, ಸಾಮಾಜಿಕ ನೆಲೆಗಳಿಂದ ಚರಿತ್ರೆಯನ್ನು ಬರೆಯುವುದು ಎಷ್ಟೊಂದು ಮಹತ್ವದ ಕೆಲಸವೆಂಬುದನ್ನೂ ಮನಗಾಣಿಸಿದ್ದಾರೆ. ಸಾಮಾಜಿಕ ಚರಿತ್ರೆಗಳನ್ನು ಕಡೆಗಣಿಸಿ ರಾಷ್ಟ್ರೀಯತೆಯ ಕಲ್ಪನೆಯನ್ನು ಊಹಿಸುವುದು ಕೂಡ ದುಸ್ತರದ ಸಂಗತಿಯೆಂಬುದನ್ನು ಅಂಬೇಡ್ಕರ್ ಅವರು ಚಿಂತನೆಗಳು ನಮಗೆ ಮನವರಿಕೆ ಮಾಡುತ್ತವೆ. ಈ ಕಾರಣಗಳಿಂದ ‘ಚರಿತ್ರೆಯನ್ನು ಮರೆತವರು ಚರಿತ್ರೆಯನ್ನು ಸೃಷ್ಟಿಸಲಾರರು’ ಎಂಬ ನಿಲುವನ್ನು ಅತ್ಯಂತ ಬಲವಾಗಿಯೇ ಅಂಬೇಡ್ಕರ್ ಅವರು ನಂಬಿರುತ್ತಾರೆ ಎಂಬುದು ಅತ್ಯಂತ ಗಮನಾರ್ಹ ಸಂಗತಿ.
ಚರಿತ್ರೆ ಎಂಬುದು ಒಂದು ಕನಸಾಗಲೀ ಇಲ್ಲವೇ ಭ್ರಮೆಯಾಗಲೀ ಅಲ್ಲ ಹಾಗೂ ಚರಿತ್ರೆಯೆಂಬುದು ಒಂದು ನಿರ್ವಾತವೂ ಅಲ್ಲ ಮತ್ತು ತೆರಪುಗಳನ್ನು ತುಂಬುವ ಪ್ರಕ್ರಿಯೆಯೂ ಅಲ್ಲ. ಬದಲಾಗಿ ಅದೊಂದು ಸಾಮಾಜಿಕ-ಸಾಂಸ್ಕೃತಿಕ-ರಾಜಕೀಯ ಗ್ರಹಿಕೆ ಮತ್ತು ಜ್ಞಾನಶಿಸ್ತು ಆಗಿರುತ್ತದೆ. ಜ್ಞಾನಶಿಸ್ತುಗಳು ಮತ್ತು ಗ್ರಹಿಕೆಗಳು ಸಮೂಹ ಕೇಂದ್ರಿತವಾಗಿರುಬೇಕೆ ಹೊರತು ಕೇವಲ ರಾಜಕೀಯ-ಸಾಮಾಜಿಕ ಪ್ರಾಬಲ್ಯವನ್ನು ಹೊಂದಿರುವ ವ್ಯಕ್ತಿಗಳ ಇಲ್ಲವೇ ಆಳುವ ವರ್ಗಗಳನ್ನು ಮಾತ್ರ ಪ್ರತಿನಿಧಿಸುವ ವಿನ್ಯಾಸಗಳಾಗಿ ಇವುಗಳು ಇರಲಾರವು. ಚರಿತ್ರೆಯೂ ಒಂದು ಜ್ಞಾನಶಿಸ್ತೇ ಆಗಿರುವುದರಿಂದ, ಇದು ಬಹುಸಮೂಹಗಳನ್ನು ಪ್ರತಿನಿಧಿಸುವ ವಿನ್ಯಾಸವಾಗಬೇಕು ಎಂಬ ಅಚಲವಾದ ನಿಲುವನ್ನು ಅಂಬೇಡ್ಕರ್ ಅವರು ತಾಳಿದ್ದರು. ಯಾವುದೇ ಗ್ರಹಿಕೆಯು ಸಮೂಹ ಕೇಂದ್ರಿತವಾಗಿರುತ್ತದೆ ಎನ್ನುವ ನಿಲುವಿನಲ್ಲಿ ಅಂಬೇಡ್ಕರ್ ಅವರಿಗೆ ತಾತ್ವಿಕ ಹಾಗೂ ವೈಯಕ್ತಿಕವಾಗಿ ಅಪಾರವಾದ ನಂಬಿಕೆಯಿತ್ತು.
ಹಾಗಾಗಿ ಅಂಬೇಡ್ಕರ್ ಅವರು ನಿನ್ನೆಗಳನ್ನು ಕುರಿತಾದ ತಾತ್ವಿಕ ಪ್ರಶ್ನೆಗಳನ್ನು ಮೈಮೇಲೆ ಎಳೆದುಕೊಂಡು, ಅವುಗಳಿಗೆ ಉತ್ತರಗಳನ್ನು ಹುಡುಕುವ ಪ್ರಯತ್ನವನ್ನು ಮಾಡಿರುತ್ತಾರೆ. ನಿನ್ನೆಗಳು ತಮ್ಮ ಹಕ್ಕುಗಳೆಂದು ಯಾರು ವಾದಿಸುವವರೋ ಅವರೆಲ್ಲರಿಗೂ, ವರ್ತಮಾನದಲ್ಲಿ ಉಂಟಾಗಿರುವ ಬಿಕ್ಕಟ್ಟುಗಳಿಗೆ ಈ ನಿನ್ನೆಗಳು ಹೇಗೆ ಹೊಣೆಯಾಗಿವೆ ಎಂಬ ದಿಟವನ್ನು ಅರಿಯುವುದಕ್ಕೆ ಬೇಕಾದ ವಿಶ್ಲೇಷಣೆಗಳನ್ನು ಇವರು ಮಾಡಿರುತ್ತಾರೆ. ಅಂಬೇಡ್ಕರ್ ಅವರ ಈ ಹಾದಿಯು ಎಲ್ಲರಿಗೂ ಒಪ್ಪಿತವಾಗುವ ಸತ್ಯವನ್ನು ಹೇಳುವುದಲ್ಲ. ಬದಲಾಗಿ, ಎಲ್ಲ ಸಮೂಹಗಳ ಇವತ್ತಿನ ಬದುಕಿಗೆ ಅಗತ್ಯವಾಗಿರುವ ಹಾದಿಗಳನ್ನು ರೂಪಿಸುವುದಾಗಿತ್ತು. ಆದ್ದರಿಂದ, ಸದ್ಯದ ಚರಿತ್ರೆ, ಸಾಹಿತ್ಯ, ಸಂಸ್ಕೃತಿ, ಆರ್ಥಿಕತೆ ಹಾಗೂ ರಾಜಕಾರಣವನ್ನು ವಿಶ್ಲೇಷಿಸುವುದಕ್ಕೆ ಅಂಬೇಡ್ಕರ್ ಅವರು ರೂಪಿಸಿದ ಈ ತಾತ್ವಿಕ ವಿನ್ಯಾಸಗಳು ಅತ್ಯಂತ ಸಮರ್ಪಕವಾಗಿರುತ್ತವೆ. ಇವರ ಈ ತಾತ್ವಿಕ ವಿನ್ಯಾಸಗಳಲ್ಲಿ ಅನ್ಯ ಪ್ರಭಾವಕ್ಕಿಂತ ಪ್ರೇರಣೆಗಳನ್ನು ಮಾತ್ರ ನಾವು ಕಾಣುತ್ತೇವೆ. ಆದ್ದರಿಂದ ಅಂಬೇಡ್ಕರ್ ಅವರು ರೂಪಿಸಿದ ಮರುರಚನೆಯ (ರೀಕನ್ಸ್ಟ್ರಕ್ಸನ್) ಮಾದರಿಗಳು ಕೇವಲ ತೆರಪುಗಳನ್ನು ತುಂಬುವ ರಚನೆಗಳಾಗದೆ, ವರ್ತಮಾನದ ಬಿಕ್ಕಟ್ಟುಗಳಿಗೆ ಇವುಗಳು ಹೇಗೆ ಕಾರಣವಾಗಿರುತ್ತವೆ ಹಾಗೂ ಇವುಗಳಿಗೆ ಉತ್ತರಗಳನ್ನು ಕಂಡುಕೊಳ್ಳುವ ಬಗೆಗಳಾವುವು ಎಂಬೆಲ್ಲ ಸಂಗತಿಗಳನ್ನು ಕುರಿತು ಅತ್ಯಂತ ವಸ್ತುನಿಷ್ಠ ವಿಶ್ಲೇಷಣೆಗಳನ್ನು ತಮ್ಮ ಬರಹಗಳಲ್ಲಿ ಮಾಡಿರುತ್ತಾರೆ.
ಅಂಬೇಡ್ಕರ್ ಅವರಿಗಿಂತ ಮೊದಲು ಇಂತಹದೊಂದು ನೋಟಕ್ರಮಕ್ಕೆ ಚಾಲನೆಯನ್ನು ಕೊಟ್ಟವರು ಜ್ಯೋತಿರಾವ್ ಫುಲೆಯವರು. ಆದರೆ ಇವರಿಬ್ಬರ ತಿಳಿವಳಿಕೆಗಳನ್ನು ಹೋಲಿಸಿ ನೋಡುವ ಉದ್ದೇಶಕ್ಕಿಂತ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳು ಬೆಳೆಯುವುದಕ್ಕೆ ಬೇಕಾಗಿರುವ ಚಾರಿತ್ರಿಕ ಒತ್ತಡಗಳು ಹೇಗಿರುತ್ತವೆ ಎಂಬ ದಿಟವನ್ನು ಅರಿಯುವುದಕ್ಕೆ, ಫುಲೆಯವರ ಚಿಂತನೆಗಳನ್ನು ಇಲ್ಲಿ ಚರ್ಚಿಸಲಾಗಿದೆ. ಹಾಗೂ ಭಾರತದ ಸನ್ನಿವೇಶದಲ್ಲಿ ಚರಿತ್ರೆ ಕಥನಶಾಸ್ತ್ರಗಳ ವಿಭಿನ್ನ ಸ್ವರೂಪವನ್ನೂ ಈ ಮೂಲಕ ಅರಿಯಬಹುದಾಗಿದೆ. ಜ್ಞಾನಶಿಸ್ತುಗಳನ್ನು ರೂಪಿಸುವ ಪ್ರಕ್ರಿಯೆಯ ಭಾಗವಾಗಿ ಈ ಹಾದಿಯನ್ನು ಕರ್ನಾಟಕದ ವಿದ್ವತ್ ಲೋಕದಲ್ಲಿ ಇಡೀಯಾಗಿ ಅನುಸರಿಸುವುದನ್ನು ನಾನು ಕಾಣಲಾರೆ.
ಅಂದರೆ ಯಾರೂ ಈ ಹಾದಿಯನ್ನು ತುಳಿಯುತ್ತಿಲ್ಲವೆಂದು ಅರ್ಥವಲ್ಲ. ಬದಲಾಗಿ ಇದುವೇ ಮುಖ್ಯಧಾರೆ ಚಿಂತನೆಯ ಕ್ರಮವಾಗಿ ಭಾರತ ಇಲ್ಲವೇ ಕರ್ನಾಟಕದಲ್ಲಿ ಇನ್ನೂ ಬೆಳೆದಿಲ್ಲವೆಂದರ್ಥ. ಆದರೆ ಅಂಬೇಡ್ಕರ್ ಚಿಂತನೆಯ ಮಾದರಿಯೆಂಬುದನ್ನು ಕೇವಲ ಪರ್ಯಾಯ ಆಲೋಚನೆಯ ಕ್ರಮವನ್ನಾಗಿ ಮಾತ್ರ ನೋಡಲಾಗಿದೆ. ಈ ನಿಲುವು ಸರಿಯಲ್ಲ. ಏಕೆಂದರೆ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳೇ ನಮ್ಮ ಮುಖ್ಯಧಾರೆಯ ಆಲೋಚನೆಯ ಕ್ರಮಗಳಾಗಬೇಕಾದ ತುರ್ತು ಇದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ
~ಗೋವರ್ಧನ ನವಿಲೇಹಾಳು
ಮಧ್ಯ ಕರ್ನಾಟಕದ ಹೃದಯಭಾಗವಾದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಈಗ ಉಪಚುನಾವಣೆಯ ಕಾವು ಏರುತ್ತಲೇ ಇದೆ. ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದಾಗಿ ಖಾಲಿಯಾದ ಈ ಕ್ಷೇತ್ರದಲ್ಲಿ ಏಪ್ರಿಲ್ 9, 2026ರಂದು ಮತದಾನ ನಡೆಯಲಿದೆ. ಫಲಿತಾಂಶ ಮೇ 4ರಂದು ಪ್ರಕಟವಾಗಲಿದೆ. ಈ ಉಪಚುನಾವಣೆಯು ಕೇವಲ ಒಂದು ಸೀಟಿನ ಹೋರಾಟವಲ್ಲ; ಇದು ಕರ್ನಾಟಕ ರಾಜಕೀಯದಲ್ಲಿ ಪ್ರತಿಷ್ಠೆ, ಕುಟುಂಬ ವಾರಸುದಾರಿಕೆ, ಸಮುದಾಯ ಸಮೀಕರಣಗಳು ಮತ್ತು ಅಭಿವೃದ್ಧಿ ನಿರೀಕ್ಷೆಗಳ ನಡುವಿನ ಸಂಕೀರ್ಣ ಸಮರವಾಗಿದೆ.
ಶಾಮನೂರು ಶಿವಶಂಕರಪ್ಪ ಅವರು ತಾನು ಸ್ಪರ್ಧಿಸಿದ ಈ ಕ್ಷೇತ್ರವನ್ನು ಎಂದೂ ಸೋಲದೆ ಉಳಿಸಿಕೊಂಡಿದ್ದರು. ಅವರ ನಂತರ ಕಾಂಗ್ರೆಸ್ ಪಕ್ಷವು ಅವರ ಮೊಮ್ಮಗ ಸಮರ್ಥ್ ಶಾಮನೂರು ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ಇದು ಕಾಂಗ್ರೆಸ್ ಹೇಳುವಂತೆ “ಕುಟುಂಬಕ್ಕೆ ಟಿಕೆಟ್ ನೀಡುವ ಸಾಂಪ್ರದಾಯಿಕ ನಡೆ”ಯಾಗಿದೆ. ಬಿಜೆಪಿ ಪಕ್ಷವು ಶ್ರೀನಿವಾಸ್ ಟಿ. ದಾಸಕರಿಯಪ್ಪ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದೆ. ಇದರ ಜೊತೆಗೆ SDPIಯ ಅಫ್ಸರ್ ಕೊಡ್ಲಿಪೇಟೆ, ಸಾದಿಕ್ ಪೈಲ್ವಾನ್ ಸೇರಿದಂತೆ 25 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಆದರೆ ಮುಖ್ಯ ಹೋರಾಟ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆಯೇ ಇದೆ .
ಈ ಉಪಚುನಾವಣೆಯಲ್ಲಿ ಮುಸ್ಲಿಂ ಸಮುದಾಯದ ಪಾತ್ರ ನಿರ್ಣಾಯಕವಾಗಿದೆ. ಕ್ಷೇತ್ರದಲ್ಲಿ ಮುಸ್ಲಿಂ ಮತದಾರರ ಸಂಖ್ಯೆ ಸುಮಾರು 40% ಇದೆ ಎಂದು ಅಂದಾಜು. ಶಾಮನೂರು ಕುಟುಂಬಕ್ಕೆ ಐತಿಹಾಸಿಕ ಬೆಂಬಲವಿದ್ದರೂ, ಈ ಬಾರಿ ಮುಸ್ಲಿಂ ನಾಯಕರು ಟಿಕೆಟ್ ಆಕಾಂಕ್ಷೆಯನ್ನು ವ್ಯಕ್ತಪಡಿಸಿದ್ದರು. ಕಾಂಗ್ರೆಸ್ ಪಕ್ಷವು ಕುಟುಂಬ ವಾರಸುದಾರಿಕೆಯನ್ನು ಆಯ್ಕೆ ಮಾಡಿದ್ದಕ್ಕೆ ಅಸಮಾಧಾನ ವ್ಯಕ್ತವಾಗಿದೆ. ಸಚಿವ ಜಮೀರ್ ಅಹಮದ್ ಅವರ ಪ್ರಚಾರ ಮತ್ತು ಸಿಎಂ ಸಿದ್ದರಾಮಯ್ಯ ಅವರ ಭೇಟಿಗಳು ಈ ಅಸಮಾಧಾನವನ್ನು ತಣಿಸುವ ಪ್ರಯತ್ನವಾಗಿದೆ. ಆದರೆ ಮುಸ್ಲಿಂ ಮತಗಳ ವಿಭಜನೆಯ ಸಾಧ್ಯತೆ ಇದೆ. SDPI ಮತ್ತು ಇತರ (ಕಾಂಗ್ರೆಸ್ ಸಾದಿಕ್ ಅವರನ್ನು ಪೈಲ್ವಾನ್ ತಟಸ್ಥರಾಗಿರುವಂತೆ ಹೇಳಿದೆ) ಮುಸ್ಲಿಂ ಅಭ್ಯರ್ಥಿಗಳು ಈ ವಿಭಜನೆಯನ್ನು ಹೆಚ್ಚಿಸುವ ಸಾಧ್ಯತೆಯಿದೆ. ಬಿಜೆಪಿ ಎಸ್ಟಿ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಅಹಿಂದ ಮತಗಳನ್ನು ಸೆಳೆಯುವ ತಂತ್ರ ರೂಪಿಸಿದೆ.
ಕಾಂಗ್ರೆಸ್ ಪಕ್ಷಕ್ಕೆ ಈ ಉಪಚುನಾವಣೆ ಪ್ರತಿಷ್ಠೆಯ ವಿಷಯವಾಗಿದೆ. ರಾಜ್ಯದಲ್ಲಿ ಆಡಳಿತಾರೂಢ ಪಕ್ಷವಾಗಿ ತನ್ನ ಬಲವನ್ನು ಉಳಿಸಿಕೊಳ್ಳುವುದು ಅತ್ಯಗತ್ಯ. ಸಿಎಂ ಸಿದ್ದರಾಮಯ್ಯ ಅವರು ಬಜೆಟ್ನಲ್ಲಿ ದಾವಣಗೆರೆ ದಕ್ಷಿಣಕ್ಕೆ 100 ಕೋಟಿ ರೂಪಾಯಿ ಅನುದಾನ ಘೋಷಿಸಿದ್ದು, ಇದು ಉಪಚುನಾವಣೆಗೆ ಮುನ್ನ ಜನರನ್ನು ಆಕರ್ಷಿಸುವ ಪ್ರಯತ್ನವಾಗಿ ಕಾಣುತ್ತಿದೆ. ಅನುಕಂಪದ ಅಲೆಯೂ ಕಾಂಗ್ರೆಸ್ಗೆ ಬೆಂಬಲ ನೀಡುವ ಸಾಧ್ಯತೆಯಿದೆ. ಆದರೆ ಪಕ್ಷದಲ್ಲಿ ಬಂಡಾಯದ ಬಿಸಿ ತಟ್ಟಿದೆ. ಕಾಂಗ್ರೆಸ್ ನ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಅವರನ್ನು ಪಕ್ಷ ಚುನಾವಣೆಯಲ್ಲಿ ತಟಸ್ಥರಾಗಿರುವಂತೆ ಹೇಳಿದೆ. ಆದರೆ ಇದು ಮುಸಲ್ಮಾನರ ಒಳಮುನಿಸನ್ನು ತಣಿಸುತ್ತದೆಯೇ ಅಥವಾ ಮತ ವಿಭಜನೆಗೆ ಕಾರಣವಾಗುತ್ತದೆಯೇ ಎಂಬುದು ಫಲಿತಾಂಶದ ಮೇಲೆ ಪರಿಣಾಮವನ್ನಂತೂ ಬೀರುತ್ತದೆ.
ಬಿಜೆಪಿ ಪಕ್ಷಕ್ಕೆ ಇದು ನೈತಿಕ ಸ್ಥೈರ್ಯವನ್ನು ಹೆಚ್ಚಿಸುವ ಅವಕಾಶ. 2023ರ ವಿಧಾನಸಭಾ ಚುನಾವಣೆಯಲ್ಲಿ ಶಾಮನೂರು ಶಿವಶಂಕರಪ್ಪ ಅವರು ಬಿಜೆಪಿ ಅಭ್ಯರ್ಥಿ ಅಜಯ್ ಕುಮಾರ್ ಅವರನ್ನು ಸುಮಾರು 27,888 ಮತಗಳ ಅಂತರದಿಂದ ಸೋಲಿಸಿದ್ದರು. ಈ ಬಾರಿ ಬಿಜೆಪಿ “ಬದಲಾವಣೆ”ಯ ಸಂದೇಶವನ್ನು ನೀಡುತ್ತಿದೆ. ಅಭಿವೃದ್ಧಿ ಕೊರತೆ, ಗ್ಯಾರಂಟಿ ಯೋಜನೆಗಳ ವೆಚ್ಚ ಮತ್ತು ಸರ್ಕಾರದ ನೀತಿಗಳ ವಿರುದ್ಧ ವಾಗ್ದಾಳಿ ನಡೆಸುತ್ತಿದೆ. ಶ್ರೀನಿವಾಸ್ ದಾಸಕರಿಯಪ್ಪ ಅವರು ಕುಟುಂಬ ರಾಜಕಾರಣಕ್ಕೆ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ. ಆದರೆ ಬಿಜೆಪಿಗೆ ಕ್ಷೇತ್ರದಲ್ಲಿ ಐತಿಹಾಸಿಕ ಬೆಂಬಲ ಕಡಿಮೆ. ಮುಸ್ಲಿಂ ಮತ್ತು ಅಹಿಂದ ಮತಗಳನ್ನು ತನ್ನತ್ತ ಸೆಳೆಯುವುದು ಅವರ ದೊಡ್ಡ ಸವಾಲು.
ದಾವಣಗೆರೆ ದಕ್ಷಿಣ ಕ್ಷೇತ್ರವು ಕೈಗಾರಿಕೆ, ವ್ಯಾಪಾರ ಮತ್ತು ಕೃಷಿಯ ಸಮ್ಮಿಶ್ರಣವಾಗಿದೆ. ರಸ್ತೆಗಳು, ನೀರಾವರಿ, ಉದ್ಯೋಗ, ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳು ಜನರ ಮುಖ್ಯ ನಿರೀಕ್ಷೆಗಳು. ಹಿರಿಯ ಶಾಸಕರ ಕಾಲದಲ್ಲಿ ಕ್ಷೇತ್ರಕ್ಕೆ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದ್ದವು. ಆದರೆ ಇಂದು ಯುವಕರ ಉದ್ಯೋಗ, ಮಹಿಳೆಯರ ಸುರಕ್ಷತೆ ಮತ್ತು ಸ್ಥಳೀಯ ಸಮಸ್ಯೆಗಳು ಬಗೆಹರಿಯಬೇಕಿದೆ. ಉಪಚುನಾವಣೆಯಲ್ಲಿ ಅಭ್ಯರ್ಥಿಗಳು ಭರವಸೆಗಳ ಮಳೆ ಸುರಿಸುತ್ತಿದ್ದಾರೆ. ಆದರೆ ಜನರು ನೋಡುವುದು ಕಾರ್ಯನಿರ್ವಹಣೆಯನ್ನು. 100 ಕೋಟಿ ಅನುದಾನ ಘೋಷಣೆಯಂತಹ ಕ್ರಮಗಳು ತಾತ್ಕಾಲಿಕ ಆಕರ್ಷಣೆಯಾಗಬಹುದು, ಆದರೆ ಸುಸ್ಥಿರ ಅಭಿವೃದ್ಧಿ ಅಗತ್ಯ.
ರಾಜಕೀಯವು ಜನಸೇವೆಗಾಗಿ ಇರಬೇಕು, ಅಧಿಕಾರಕ್ಕಾಗಿ ಅಲ್ಲ ಎಂಬುದು ಎಲ್ಲರೂ ಹೇಳುವ ಮಾತು. ಆದರೆ ವಾಸ್ತವದಲ್ಲಿ ಕುಟುಂಬ ರಾಜಕಾರಣ, ಜಾತಿ-ಸಮುದಾಯ ಲೆಕ್ಕಾಚಾರಗಳು ಪ್ರಬಲವಾಗಿವೆ. ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬದ ವರ್ಚಸ್ಸು ದೀರ್ಘಕಾಲದ್ದು. ಇದು ಜನಸೇವೆಯ ಫಲವೋ ಅಥವಾ ವ್ಯವಸ್ಥೆಯ ದೌರ್ಬಲ್ಯವೋ ಎಂಬುದನ್ನು ಜನರು ನಿರ್ಧರಿಸಬೇಕು. ಬಿಜೆಪಿ “ಬದಲಾವಣೆ”ಯ ಸಂದೇಶ ನೀಡುತ್ತಿದ್ದರೂ, ಅದು ಕೇವಲ ವಿರೋಧ ಪಕ್ಷದ ಧ್ವನಿಯಾಗಿ ಉಳಿಯದೆ ಸಕಾರಾತ್ಮಕ ಪರ್ಯಾಯವಾಗಬೇಕು.
ಈ ಉಪಚುನಾವಣೆಯಲ್ಲಿ ಮತದಾರರ ಜವಾಬ್ದಾರಿ ದೊಡ್ಡದು. ಅನುಕಂಪ, ಕುಟುಂಬ ನಿಷ್ಠೆ ಅಥವಾ ಸಮುದಾಯ ಲೆಕ್ಕಾಚಾರಕ್ಕಿಂತ ಹೆಚ್ಚಾಗಿ ಅಭಿವೃದ್ಧಿ, ಪಾರದರ್ಶಕತೆ ಮತ್ತು ಜನೋಪಯೋಗಿ ಕಾರ್ಯಗಳನ್ನು ಆಧರಿಸಿ ಮತ ನೀಡಬೇಕು. ಯುವಕರು ಮತ್ತು ಮಹಿಳೆಯರು ಹೆಚ್ಚು ಸಕ್ರಿಯರಾಗಬೇಕು. ಮತದಾನ ಶೇಕಡಾ 80ಕ್ಕಿಂತ ಹೆಚ್ಚು ಆಗುವಂತೆ ಮಾಡುವುದು ಪ್ರಜಾಪ್ರಭುತ್ವದ ಆರೋಗ್ಯಕ್ಕೆ ಸೂಚಕ.
ಕರ್ನಾಟಕ ರಾಜಕೀಯದಲ್ಲಿ ಉಪಚುನಾವಣೆಗಳು ಸಣ್ಣ ಪರೀಕ್ಷೆಗಳು. ದಾವಣಗೆರೆ ದಕ್ಷಿಣದ ಫಲಿತಾಂಶವು 2028ರ ವಿಧಾನಸಭಾ ಚುನಾವಣೆಗೆ ಸಂದೇಶ ನೀಡುತ್ತದೆ. ಕಾಂಗ್ರೆಸ್ ಗೆದ್ದರೆ ಅದು ತನ್ನ ಬಲವನ್ನು ಮತ್ತಷ್ಟು ಭದ್ರಪಡಿಸಿಕೊಳ್ಳುತ್ತದೆ. ಬಿಜೆಪಿ ಗೆದ್ದರೆ ಅದು ವಿರೋಧ ಪಕ್ಷವಾಗಿ ತನ್ನ ಸಾಮರ್ಥ್ಯವನ್ನು ತೋರಿಸುತ್ತದೆ. ಆದರೆ ಗೆಲುವು ಯಾರದ್ದಾದರೂ, ಜಯಿಸುವುದು ದಾವಣಗೆರೆ ದಕ್ಷಿಣದ ಜನರೇ ಆಗಬೇಕು.
ಈ ಹೋರಾಟದಲ್ಲಿ ರಾಜಕೀಯ ಪಕ್ಷಗಳು ಜನರ ಸಮಸ್ಯೆಗಳನ್ನು ಕೇಂದ್ರದಲ್ಲಿ ಇರಿಸಿಕೊಂಡು ಪ್ರಚಾರ ಮಾಡಲಿ. ಮತದಾರರು ತಮ್ಮ ಧ್ವನಿಯನ್ನು ಸ್ಪಷ್ಟವಾಗಿ ಮತ್ತು ನಿರ್ಭಯವಾಗಿ ವ್ಯಕ್ತಪಡಿಸಲಿ. ದಾವಣಗೆರೆ ದಕ್ಷಿಣ ಉಪಚುನಾವಣೆಯು ಪ್ರಜಾಪ್ರಭುತ್ವದ ಸೌಂದರ್ಯವನ್ನು ಪ್ರದರ್ಶಿಸುವ ಅವಕಾಶವಾಗಲಿ. ಅಭಿವೃದ್ಧಿ, ಸಮಾನತೆ ಮತ್ತು ಪಾರದರ್ಶಕ ಆಡಳಿತದತ್ತ ಕ್ಷೇತ್ರ ಸಾಗಲಿ ಎಂಬುದೇ ನಮ್ಮ ಆಶಯ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ
250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು
ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ
ಬೆಂಗಳೂರು: ಮಧ್ಯಪ್ರದೇಶ ರಾಜ್ಯದ ಖಾರ್ಗೋನ್ ಜಿಲ್ಲೆಯಲ್ಲಿರುವ ನರ್ಮದಾ ನದಿ ತೀರದಲ್ಲಿ 250ಕ್ಕೂ ಹೆಚ್ಚು ಗಿಳಿಗಳು ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ ಸಾವನ್ನಪ್ಪಿರುವ ಪ್ರಕರಣ ಇಡೀ ದೇಶದಲ್ಲಿ ಇದೇ ಮೊದಲ ಬಾರಿಗೆ ನಡೆದ ದುರ್ಘಟನೆ ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ ಆತಂಕ ವ್ಯಕ್ತಪಡಿಸಿದ್ದಾರೆ.
ಕಳೆದ ಮೂರು ದಿನಗಳಲ್ಲಿ ನರ್ಮದಾ ನದಿ ತೀರದಲ್ಲಿ ಸುಮಾರು ಇನ್ನೂರಕ್ಕೂ ಅಧಿಕ ಗಿಳಿಗಳು ನಿಗೂಢವಾಗಿ ಸಾವನ್ನಪ್ಪಿದ್ದು ಆರಂಭದಲ್ಲಿ ಇದು ಹಕ್ಕಿ ಜ್ವರ ದಿಂದ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿತ್ತು ಆದರೆ ಪಶುವೈದ್ಯಕೀಯ ಅಧಿಕಾರಿ ಡಾ. ಸುರೇಶ್ ಬಫೇಲ್ ಅವರು ನೀಡಿದ ಮಾಹಿತಿ ಪ್ರಕಾರ ಹಕ್ಕಿಗಳ ಹೊಟ್ಟೆಯಲ್ಲಿ ಅಕ್ಕಿ ಕಾಳುಗಳು ಮತ್ತು ಸಣ್ಣ ಕಲ್ಲುಗಳು ಪತ್ತೆಯಾಗಿವೆ. ಅಲ್ಲದೆ ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ 200 ರಿಂದ 50 ಕ್ಕೂ ಅಧಿಕ ಮೃತಪಟ್ಟಿರುವ ಸಾಧ್ಯತೆಗಳು ಹೆಚ್ಚಿವೆ ಎಂದು ಹೇಳಿದ್ದು ಇವರ ಮಾಹಿತಿಯನ್ನು ಆದರಿಸಿ ವಿಶೇಷ ತನಿಖೆ ಮಾಡಬೇಕು ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆಗ್ರಹಿಸಿದೆ.
ಖರ್ಗೋನ್ ಜಿಲ್ಲೆಯ ಬದ್ವಾ ಪ್ರದೇಶದ ನರ್ಮದಾ ನದಿ ತೀರದಲ್ಲಿರುವ ಅಕ್ವೆಡಕ್ಟ್ ಸೇತುವೆಯ ಸಮೀಪ ಈ ಘಟನೆ ಬೆಳಕಿಗೆ ಬಂದಿದ್ದು ಅರಣ್ಯ ಇಲಾಖೆಯು ಸೇತುವೆಯ ಸುತ್ತಮುತ್ತ ಹಕ್ಕಿಗಳಿಗೆ ಆಹಾರ ನೀಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ. ಸದ್ಯ ಹಕ್ಕಿಗಳ ಸಾವಿಗೆ ನಿಖರ ಕರಣ ತಿಳಿಯಲು ಹಕ್ಕಿಗಳ ಅವಶೇಷಗಳನ್ನು ಜಬಲ್ಪುರಕ್ಕೆ ಕಳುಹಿಸಲಾಗಿದೆ. ಸದ್ಯ ಅರಣ್ಯ ಇಲಾಖೆ ಮತ್ತು ಪಶುವೈದ್ಯಕೀಯ ತಂಡಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿವೆ.
ಇನ್ನೊಂದು ಮುಖ್ಯ ವಿಚಾರ ಏನೆಂದರೆ ಪಕ್ಷಿಗಳಿಗೆ ಮನುಷ್ಯರು ಸೇವಿಸುವ ಎಣ್ಣೆ ಪದಾರ್ಥ ಅಥವಾ ಬೇಯಿಸಿದ ಆಹಾರ ನೀಡುವುದು ಅವುಗಳ ಜೀರ್ಣಾಂಗ ವ್ಯವಸ್ಥೆಯ ಮೇಲೆ ಮಾರಕ ಪರಿಣಾಮ ಬೀರುತ್ತದೆ ಎಂದು ಪಶುವೈದ್ಯಕೀಯ ಅಧಿಕಾರಿ ಡಾ. ಮನಿಷಾ ಚೌಹಾಣ್ ಹೇಳಿದ್ದಾರೆ. ಏನೇ ಆದರೂ ನೂರಾರು ಗಿಳಿಗಳು ಸಾವನ್ನಪಿರುವುದು ಮಾತ್ರ ದುರಂತ.
ಈ ಸಂದರ್ಭದಲ್ಲಿ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ, ಹಿರಿಯ ಉಪಾಧ್ಯಕ್ಷರಾದ ಗುರುರಾಜ್ ಹೂಗಾರ್, ಉಪಾಧ್ಯಕ್ಷರಾದ ಯೋಗೀಶ್ ಕುಮಾರ್, ರುದ್ರಮುನಿ, ಡಾ.ಸಿದ್ದಲಿಂಗಪ್ಪ, ಮತ್ತು ಪದಾಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

-
ದಿನದ ಸುದ್ದಿ3 days ago2.5 ಕೋಟಿ ಖರೀದಿಯಲ್ಲಿ ಅವ್ಯವಹಾರ ; ಆಯುಕ್ತೆ ಮಂಜುಶ್ರೀ ಸೇರಿ 6 ಅಧಿಕಾರಿಗಳ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ6 days agoದಾವಣಗೆರೆ | ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬೆಂಕಿ ರಹಿತ ಕುಕಿಂಗ್ ಕಾರ್ಯಕ್ರಮ
-
ದಿನದ ಸುದ್ದಿ6 days agoಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ : ಕೂಡಲೇ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ
-
ದಿನದ ಸುದ್ದಿ3 days agoದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಸಮಾರೋಪ ಸಮಾರಂಭ
-
ದಿನದ ಸುದ್ದಿ7 days agoಸಂಶೋಧಕರಿಂದ ಪಶ್ಚಿಮ ಘಟ್ಟಗಳಲ್ಲಿ ಮೂರು ಅಣಬೆಯ ಹೊಸ ಶಿಲೀಂಧ್ರ ಜಾತಿಗಳ ಪತ್ತೆ
-
ಅಂಕಣ2 days agoಪ್ರಜಾಪ್ರಭುತ್ವ: ಸಮಾನತೆ, ಸಾಮಾಜಿಕ ನ್ಯಾಯ ಮತ್ತು ನೈತಿಕ ಹೊಣೆಗಾರಿಕೆ
-
ಕ್ರೀಡೆ6 days agoಹಿರಿಯ ಕ್ರಿಕೆಟ್ ಪಟು ಎನ್ಆರ್ಎಚ್ ರಮೇಶ್ ನಿಧನ
-
ದಿನದ ಸುದ್ದಿ2 days agoದಾವಣಗೆರೆ| ಅಪರಿಚಿತರು ನೀಡಿದ ಟೆಲಿಗ್ರಾಮ್ ಲಿಂಕ್ ಕ್ಲಿಕ್ ಮಾಡಿ 14 ಲಕ್ಷ ಕಳೆದುಕೊಂಡ ಉಪನ್ಯಾಸಕ



