ಬಹಿರಂಗ
ಬೌದ್ಧಿಕ ಕ್ರೌರ್ಯವೂ ಮನದ ಮಾತಿನ ಮೌನವೂ
- ನಾ ದಿವಾಕರ
ತಣ್ಣನೆಯ ಮೌನ ಎಂತಹ ಭೀಭತ್ಸ ಕ್ರೌರ್ಯವನ್ನೂ ಮೀರಿಸುವಂತಹ ಬರ್ಬರ ಮನಸ್ಥಿತಿಯ ಸಂಕೇತ. ಭಾರತ ಮೂಲತಃ ಹಿಂಸೆಯ ನಾಡು. ಇಲ್ಲಿ ಹಿಂಸೆಯ ಪರಿಭಾಷೆ ಅಗೋಚರ ತಂತುಗಳಲ್ಲಿ ಅಡಗಿರುತ್ತದೆ. ಇತಿಹಾಸ ಕಾಲದಿಂದಲೂ ಭಾರತದ ಒಡಲಲ್ಲಿ ಈ ತಂತುಗಳು ನೆಲೆ ಕಂಡುಕೊಂಡಿವೆ.
ಪ್ರತ್ಯಕ್ಷವಾಗಿ ನಡೆಯುವ ಹಿಂಸೆಯನ್ನೂ ಸಾಪೇಕ್ಷ ನೆಲೆಯಲ್ಲಿ ನೋಡುವ ಮೂಲಕ ನಾವು ನಮ್ಮ ನಡುವಿನ ಅಹಿಂಸಾತ್ಮಕ ಧೋರಣೆಯನ್ನು ಮುನ್ನೆಲೆಗೆ ತರುತ್ತೇವೆ. ನಾವು ತೊಟ್ಟ ಅಥವಾ ತೊಡುವ ಮಸೂರಗಳು ಹಿಂಸೆ ಮತ್ತು ಅಹಿಂಸೆಯನ್ನು ನಿರ್ಧರಿಸುತ್ತವೆ. ಜಾತಿ ಶ್ರೇಣೀಕರಣದ ನೆಲೆಯಲ್ಲೇ ಭಾರತೀಯ ಸಮಾಜದಲ್ಲಿ ಹಿಂಸೆ ಮತ್ತು ಅಹಿಂಸೆಯ ವ್ಯಾಖ್ಯಾನಗಳೂ ಮೌಲ್ಯಯುತವಾಗಿಬಿಡುತ್ತವೆ.
ಭಾರತದ ಇತಿಹಾಸದಲ್ಲಿ ಅಹಿಂಸಾ ಬೋಧಕರು ಹೇರಳವಾಗಿ ಕಂಡುಬರುತ್ತಾರೆ. ಅಹಿಂಸೆಯನ್ನೇ ಮೂಲತತ್ವವನ್ನಾಗಿ ಬೋಧಿಸುವ ಜೈನ ಧರ್ಮವೂ ಭಾರತದಲ್ಲಿ ಹುಟ್ಟಿದೆ. ಇತರ ಯಾವುದೇ ದೇಶಗಳಿಗೆ ಹೋಲಿಸಿದರೆ ಇಲ್ಲಿ ಅಹಿಂಸೆಯ ಬೋಧನೆ ಹೆಚ್ಚು ಪರಿಣಾಮಕಾರಿಯಾಗಿದೆ. ಏಕೆಂದರೆ ಇಲ್ಲಿ ಹಿಂಸೆ ಸಮಾಜದ ಅಂತರ್ಗತ ಭಾಗವಾಗಿದೆ.
ಒಂದು ಸಂಸ್ಕøತಿಯಾಗಿದೆ. ಒಂದು ಒಪ್ಪಿತ ನಾಗರಿಕತೆಯೂ ಆಗಿದೆ. ಇಲ್ಲಿ ಹಿಂಸೆಯ ವ್ಯಾಖ್ಯಾನ, ಹಿಂಸೆಗೊಳಗಾದ ವ್ಯಕ್ತಿ, ಸಮುದಾಯ ಅಥವಾ ಅಸ್ಮಿತೆಗಳನ್ನಾಧರಿಸಿರುತ್ತದೆ. ಹಾಗಾಗಿಯೇ ಸಾರ್ವಜನಿಕ ಸಂಕಥನಗಳಲ್ಲಿ ಕೆಲವು ಹಿಂಸೆಗಳು ಸ್ವೀಕಾರಾರ್ಹ ಸಹಜ ಘಟನೆಗಳಾಗಿಬಿಡುತ್ತವೆ. ಅಥವಾ ಅನಿವಾರ್ಯ ಎನಿಸಿಬಿಡುತ್ತವೆ. ಕಾರಣ ಇಷ್ಟೆ, ಹಿಂಸೆಗೊಳಗಾದವರು ಒಂದು ಪ್ರಬಲ ವರ್ಗದ ದೃಷ್ಟಿಯಲ್ಲಿ ಅರ್ಹರೂ ಆಗಿಬಿಡುತ್ತಾರೆ. ಈ ಪ್ರಬಲ ವರ್ಗವೇ ದೇಶದ ಸಾರ್ವಜನಿಕ ಅಭಿಪ್ರಾಯದ ಜನಕ ಆಗಿರುತ್ತದೆ.
ಹಾಗಾಗಿಯೇ ಶತಮಾನಗಳ ನಂತರವೂ ಭಾರತೀಯ ಸಮಾಜದಲ್ಲಿ ಹಿಂಸೆ ಮತ್ತು ಅಹಿಂಸೆಯ ವ್ಯಾಖ್ಯಾನಕ್ಕೆ ಒಂದು ಮಾನವೀಯ ಸಂವೇದನೆಯ ಸ್ಪರ್ಶ ಇರಲೇ ಇಲ್ಲ. ದೇಶದ ಬಹುಸಂಖ್ಯಾತ ಜನರನ್ನು , ಮೂಲ ನಿವಾಸಿಗಳನ್ನು ಶೋಷಿತರಾಗಿಯೇ ಮುಂದುವರೆಸಿ ಶಿಕ್ಷಣ ಮತ್ತು ಸಾಮಾಜಿಕ ಘನತೆಯಿಂದ ವಂಚಿತರನ್ನಾಗಿ ಮಾಡಿದ್ದು ನಮ್ಮ ಲಿಖಿತ ಇತಿಹಾಸದಲ್ಲಿ ಹಿಂಸೆಯ ಚೌಕಟ್ಟಿನಲ್ಲಿ ಚರ್ಚೆಗೊಳಗಾಗಿಲ್ಲ.
ಪೇಶ್ವೆಯರ ಆಡಳಿತದಲ್ಲಿ ನಡೆಯುತ್ತಿದ್ದ ಜಾತಿ ದೌರ್ಜನ್ಯಗಳು ಇಂದಿಗೂ ಸಹ ಹಿಂಸೆಯ ಪರಿಕಲ್ಪನೆಯಲ್ಲಿ ವ್ಯಾಖ್ಯಾನಕ್ಕೊಳಗಾಗಿಲ್ಲ. ಈ ಅಮಾನುಷ ಪದ್ಧತಿಗಳನ್ನು ಭಾರತೀಯ ಸಮಾಜದ ನ್ಯೂನತೆ ಎಂದಷ್ಟೇ ಗುರುತಿಸಲಾಗುತ್ತಿದೆಯೇ ಹೊರತು, ಇದು ಭಾರತೀಯ ಶ್ರೇಣೀಕೃತ ಸಮಾಜದಲ್ಲಿ ಅಂತರ್ಗತವಾಗಿದ್ದ ಬೌದ್ಧಿಕ ಕ್ರೌರ್ಯ ಮತ್ತು ಹಿಂಸಾತ್ಮಕ ಧೋರಣೆಯ ಒಂದು ಆಯಾಮ ಎನ್ನುವ ವಿಶ್ಲೇಷಣೆಗಳು ಅಪರೂಪ.
ಈ ಬೌದ್ಧಿಕ ದಾರಿದ್ರ್ಯಕ್ಕೆ ಮೂಲ ಕಾರಣ ಎಂದರೆ ನಾವು ನಮ್ಮ ಸಮಾಜದಲ್ಲಿನ ಬೌದ್ಧಿಕ ಹಿಂಸೆ ಮತ್ತು ಕ್ರೌರ್ಯವನ್ನು ವ್ಯವಸ್ಥೆಯ ಒಂದು ಲೋಪ ಎಂದೇ ಭಾವಿಸಿದ್ದೇವೆಯೇ ಹೊರತು, ಇದು ಒಂದು ಸಮಾಜೋ ಸಾಂಸ್ಕೃತಿಕ ವ್ಯಸನ ಎಂದು ಭಾವಿಸಿಯೇ ಇಲ್ಲ.
ಹಾಗಾಗಿ ಸಮಕಾಲೀನ ಸಂದರ್ಭದಲ್ಲಿ ನಡೆದಿರುವ ಮತ್ತು ಈ ಹೊತ್ತಿನಲ್ಲೂ ಕಂಡುಬರುತ್ತಿರುವ ಕ್ರೌರ್ಯ ಮತ್ತು ಹಿಂಸೆ ಆಳುವ ವರ್ಗಗಳ ದೃಷ್ಟಿಯಲ್ಲಿ ಕಾನೂನು ಸಮಸ್ಯೆಯಾಗಿ ಕಂಡುಬಂದರೆ, ಸಮಾಜದ ದೃಷ್ಟಿಯಲ್ಲಿ ಸಹಜ ಸ್ವಾಭಾವಿಕ ಘಟನೆಗಳಾಗಿ ಕಂಡುಬರುತ್ತವೆ. ಹಥ್ರಾಸ್ ನಲ್ಲಿ ಅತ್ಯಾಚಾರಕ್ಕೊಳಗಾದ ಮಹಿಳೆ, ಊನ ಗ್ರಾಮದಲ್ಲಿ ವ್ಯವಸ್ಥಿತ ಹಲ್ಲೆಗೊಳಗಾದ ಅಸ್ಪøಶ್ಯರು, ಒಂದು ಮಾಂಸದ ತುಂಡಿಗೆ ಬಲಿಯಾದ ಅಕ್ಲಾಖ್ ಮತ್ತು ಮಲಗುಂಡಿಯಲ್ಲಿ ಬಿದ್ದು ಅಸುನೀಗುತ್ತಿರುವ ಸ್ವಚ್ಚತಾ ಕಾರ್ಮಿಕರು ಹಿಂಸೆಯ ವ್ಯಾಖ್ಯಾನಕ್ಕೆ ಒಳಪಡುವುದಿಲ್ಲ.
21ನೆಯ ಶತಮಾನದ ಮೂರನೆಯ ದಶಕದಲ್ಲೂ ಅಸ್ಪೃಶ್ಯ ಸಮುದಾಯದ ಮೇಲೆ ನಡೆಯುತ್ತಿರುವ ದೌರ್ಜನ್ಯ ಭಾರತೀಯ ಸಮಾಜದ ಅಭಿಪ್ರಾಯ ಜನಕರಿಗೆ ಹಿಂಸೆ ಎನಿಸುವುದಿಲ್ಲ. ಕೇವಲ ಒಂದು ಬಗೆಹರಿಸಬಹುದಾದ ಸಮಸ್ಯೆ ಎನಿಸುತ್ತದೆ. ಕಾಶ್ಮೀರದ ಉಗ್ರಗಾಮಿಗಳಿಂದ ನಡೆಯುವ ಹತ್ಯೆಗಳು ಹಿಂಸೆಯ ಪರಾಕಾಷ್ಠೆ ಎನಿಸುತ್ತದೆ.
ಕಂಬಾಲಪಲ್ಲಿ, ಕರಂಚೇಡು, ಖೈರ್ಲಾಂಜಿ, ಲಕ್ಷ್ಮಣಪುರಬಾತೆ, ಬತಾನಿತೊಲ, ತ್ಸೆಂಡೂರು ಇವಾವುದೂ ಹಿಂಸಾಕಾಂಡ ಎನಿಸುವುದಿಲ್ಲ. ಹತ್ತಾರು ಜನರನ್ನು ಬಲಿತೆಗೆದುಕೊಂಡ ಮುಂಬೈ ಭಯೋತ್ಪಾದಕ ದಾಳಿ ಶತಮಾನಗಳ ಕಾಲ ಭಾರತದ ಭೂಪಟದಲ್ಲಿ ಕಪ್ಪುಚುಕ್ಕೆಯಾಗುವಂತಹ ಹಿಂಸಾಕಾಂಡದಂತೆ ಕಾಣುತ್ತದೆ. ಸಾವಿರಾರು ಅಮಾಯಕರನ್ನು ಬಲಿಪಡೆದ ಗುಜರಾತ್ ಹಿಂಸಾಕಾಂಡ ರಾಜಧರ್ಮದ ವೈಫಲ್ಯದಂತೆ ಮಾತ್ರವೇ ಕಾಣುತ್ತದೆ.
ಹಿಂಸೆಯನ್ನು ನಾವು ಹೇಗೇ ಸಾಪೇಕ್ಷಗೊಳಿಸಿಬಿಟ್ಟಿದ್ದೇವೆ ಎನ್ನಲು ಇದಕ್ಕಿಂತಲೂ ಉತ್ತಮ ನಿದರ್ಶನ ಬೇಕಿಲ್ಲ. ಹಿಂಸೆಗೊಳಗಾಗುವವರು ಯಾರು ಮತ್ತು ಹಿಂಸೆಯ ಜನಕರು ಯಾರು ಎನ್ನುವ ಪ್ರಶ್ನೆಗಳೇ ನಮ್ಮ ದೇಶದಲ್ಲಿ ಕ್ರೌರ್ಯ ಮತ್ತು ಹಿಂಸೆಯ ಸಂಕಥನವನ್ನು ರೂಪಿಸುತ್ತದೆ. ಇದು ಮನುವಾದಿ ಬ್ರಾಹ್ಮಣ್ಯದ ಒಂದು ಚಾರಿತ್ರಿಕ ಕೊಡುಗೆಯಾದರೆ ಮತ್ತೊಂದೆಡೆ ಭಾರತೀಯ ಸಮಾಜದಲ್ಲಿ ಬೇರೂರಿರುವ ಊಳಿಗಮಾನ್ಯ ಧೋರಣೆಯ ಕೊಡುಗೆಯೂ ಹೌದು. ಕೋವಿದ್ ಸಂದರ್ಭದಲ್ಲಿ ಮೂರು ತಿಂಗಳ ಲಾಕ್ ಡೌನ್ ಬಂಧನದಿಂದ ಕಂಗೆಟ್ಟು ವಿಚಲಿತವಾದ ಒಂದು ಸಮಾಜಕ್ಕೆ ಕಾಶ್ಮೀರದ ಜನತೆ ಒಂದು ವರ್ಷದ ಕಾಲ ದಿಗ್ಬಂಧನಕ್ಕೆ ಒಳಗಾಗಿದ್ದುದು ಹಿಂಸೆ ಎನಿಸಲೇ ಇಲ್ಲ.
ಕಾರಣ ಏನೆಂದರೆ ದೈಹಿಕ ಹಿಂಸೆಯನ್ನಷ್ಟೇ ನಾವು ಹಿಂಸೆಯ ಪರಿಭಾಷೆಯಲ್ಲಿ ವ್ಯಾಖ್ಯಾನಿಸುತ್ತೇವೆ. ಬೌದ್ಧಿಕ ಹಿಂಸೆಯನ್ನು ಮಾನವ ಸಹಜ ಕ್ರಿಯೆ ಎಂದು ಭಾವಿಸಿಬಿಡುತ್ತೇವೆ. ಭಾರತದ ಶ್ರೇಣೀಕೃತ ಸಮಾಜದಲ್ಲಿ, ಸಾಮಾಜಿಕ ಮತ್ತು ಸಾಂಸ್ಕೃತಿಕ ನರನಾಡಿಗಳಲ್ಲಿ ಹರಿಯುತ್ತಿರುವುದು ಬೌದ್ಧಿಕ ಕ್ರೌರ್ಯ ಮತ್ತು ಮಿದುಳಿನಲ್ಲಿ ಸದಾ ಜಾಗೃತವಾಗಿರುವುದು ಬೌದ್ಧಿಕ ಹಿಂಸೆ.
ಹಾಗಾಗಿಯೇ ತಲೆಯ ಮೇಲೆ ಮಲ ಹೊರುವುದು ನಮಗೆ ಕಸುಬು ಎನಿಸುತ್ತದೆ, ಹಿಂಸೆ ಎನಿಸುವುದಿಲ್ಲ. ಈ ಧೋರಣೆಯ ಒಂದು ಆಯಾಮವನ್ನು ನಾವು ಇಂದಿನ ರೈತ ಹೋರಾಟದ ನಡುವೆ ಕಾಣುತ್ತಿದ್ದೇವೆ. ಒಂದು ಪ್ರಜಾಸತ್ತಾತ್ಮಕ ದೇಶದ ಆಡಳಿತ ವ್ಯವಸ್ಥೆಯಲ್ಲಿ ಊಹಿಸಲೂ ಸಾಧ್ಯವಾಗದ ಮಟ್ಟಿಗೆ ಬೌದ್ಧಿಕ ಕ್ರೌರ್ಯ ನೆಲೆ ಮಾಡಿರುವುದನ್ನು ಭಾರತ ಸರ್ಕಾರದ ಧೋರಣೆಯಲ್ಲಿ ಕಾಣುತ್ತಿದ್ದೇವೆ.
ನವಂಬರ್ 26 , 2020ರಂದು ಆರಂಭವಾದ ರೈತರ ಪ್ರತಿಭಟನೆಗೆ ಇಂದಿಗೆ 40 ದಿನಗಳಾಗುತ್ತದೆ. ಒಂದು ಪ್ರಜಾಪ್ರಭುತ್ವದ ಆಡಳಿತ ವ್ಯವಸ್ಥೆಯಲ್ಲಿ ತಮ್ಮ ಹಕ್ಕುಗಳಿಗಾಗಿ ಹೋರಾಡುವ ಸಾರ್ವಭೌಮ ಪ್ರಜೆಗಳ ನಡುವೆ ಉಗ್ರಗಾಮಿಗಳನ್ನು, ಭಯೋತ್ಪಾದಕರನ್ನು ಹೆಕ್ಕಿ ತೆಗೆಯುವಷ್ಟು ಕ್ರೌರ್ಯ ಭಾರತದ ಮಣ್ಣಲ್ಲಿ ಇರಲು ಸಾಧ್ಯವೇ ? ಹೌದು ಎಂದೇ ಹೇಳಬೇಕಾಗುತ್ತದೆ.
ಏಕೆಂದರೆ ಇದೇ ಆಡಳಿತ ವ್ಯವಸ್ಥೆಯಲ್ಲಿ ಹತ್ತು, ಹದಿನೈದರ ಹರೆಯದ ಮಕ್ಕಳೂ ಉಗ್ರಗಾಮಿಗಳ ಪಟ್ಟಿಗೆ ಸೇರಿ ಗುಂಡೇಟಿಗೆ ಬಲಿಯಾಗಿದ್ದಾರೆ. ಇದೇ ಆಡಳಿತ ವ್ಯವಸ್ಥೆಯಲ್ಲಿ ಸಜೀವ ದಹನಕ್ಕೊಳಗಾದ ಅಮಾಯಕ ಜೀವಗಳು ನ್ಯಾಯವಂಚಿತವಾಗುತ್ತವೆ. ತಮ್ಮ ಸಾಂವಿಧಾನಿಕ ಮತ್ತು ಶೈಕ್ಷಣಿಕ ಹಕ್ಕುಗಳಿಗಾಗಿ ಹೋರಾಡುವ ವಿದ್ಯಾರ್ಥಿ ಯುವಜನರಲ್ಲಿ “ ನಗರ ನಕ್ಸಲರನ್ನು ತುಕಡೆ ತುಕಡೆ ಗುಂಪನ್ನು ” ಗುರುತಿಸಲಾಗುತ್ತದೆ.
ಇದೇ ಮಣ್ಣಲ್ಲಿ, ತಮ್ಮ ಅರಣ್ಯ ಹಕ್ಕುಗಳಿಗಾಗಿ, ಬದುಕುವ ಹಕ್ಕುಗಳಿಗಾಗಿ ಹೋರಾಡುವ ಆದಿವಾಸಿಗಳನ್ನು ಉಗ್ರಗಾಮಿಗಳಂತೆ ಕಾಣಲಾಗುತ್ತದೆ. ನಿಷ್ಕಾರುಣ್ಯವಾಗಿ ಅವರ ಶತಮಾನಗಳ ಮೂಲ ನೆಲೆಗಳನ್ನು ಧ್ವಂಸ ಮಾಡಲಾಗುತ್ತದೆ. ಇದೇ ಮಣ್ಣಿನಲ್ಲಿ ಒಂದು ಪ್ರಾಣಿಯ ಪಾವಿತ್ರ್ಯತೆಗಾಗಿ ನೂರಾರು ಮನುಜ ಜೀವಗಳನ್ನು ಬಲಿ ಕೊಡಲಾಗುತ್ತದೆ.
ಇದೇ ಮಣ್ಣಿನಲ್ಲಿ ಜಾತಿ, ಮತಧರ್ಮ ಮತ್ತು ಸಂಸ್ಕೃತಿ ರಕ್ಷಣೆಗಾಗಿ ನರಬಲಿ ನೀಡುವುದನ್ನು ಸಹಜ ಪ್ರಕ್ರಿಯೆಯಂತೆ ಸ್ವೀಕರಿಸಲಾಗಿದೆ. ಒಂದು ಪೂಜಾ ಸ್ಥಳ, ಒಂದು ಮಂದಿರ, ಒಂದು ಮಸೀದಿ ಅಥವಾ ಇಗರ್ಜಿ ಹಲವು ಜೀವಗಳಿಗೆ ಪ್ರಾಣಾಂತಿಕವಾಗುವ ಒಂದು ಸಮಾಜೋ ಸಾಂಸ್ಕøತಿಕ ವ್ಯವಸ್ಥೆಯನ್ನೂ ನಾವು ಕಂಡಿದ್ದೇವೆ. ಈ ವಿದ್ಯಮಾನಗಳಲ್ಲಿ ಕಂಡುಬರುವ ದೈಹಿಕ ಹಿಂಸೆಗಿಂತಲೂ ನಮ್ಮನ್ನು, ಅಂದರೆ ನಾಗರಿಕ ಪ್ರಜ್ಞೆ ಇರುವ ಜನರನ್ನು, ಹೆಚ್ಚು ಕಾಡಬೇಕಿರುವುದು ಈ ಮನಸುಗಳಲ್ಲಿ ಅಂತರ್ಗತವಾಗಿರುವ ಬೌದ್ಧಿಕ ಕ್ರೌರ್ಯ ಮತ್ತು ಹಿಂಸೆ.
ಈ ಬೌದ್ಧಿಕ ಕ್ರೌರ್ಯವನ್ನು ನಾವಿಂದು ಸಂಸದೀಯ ಪ್ರಜಾತಂತ್ರದ ಕಟಕಟೆಯಲ್ಲಿ ಕಾಣುತ್ತಿದ್ದೇವೆ. ಭಾರತದ ಪ್ರಜಾಸತ್ತಾತ್ಮಕ ಗಣತಂತ್ರ ವ್ಯವಸ್ಥೆಯ ಆವರಣದಲ್ಲಿ ಕಾಣುತ್ತಿದ್ದೇವೆ. ದೆಹಲಿ ಗಡಿಯಲ್ಲಿ ನಡೆಯುತ್ತಿರುವ ರೈತ ಚಳುವಳಿ ಈಗಾಗಲೇ ನಮ್ಮ ಆಡಳಿತ ವ್ಯವಸ್ಥೆಯ ನಿರ್ವೀರ್ಯತೆ, ನಿರ್ಲಜ್ಜತೆ ಮತ್ತು ಕ್ರೂರ ಮುಖವಾಡವನ್ನು ಕಳಚಿಹಾಕಿದೆ.
ರಾಜಧಾನಿಯ ನಾಲ್ಕೂ ಕಡೆ ನೆರೆದಿರುವ ಲಕ್ಷಾಂತರ ರೈತಾಪಿಯ ನಡುವೆ ಖಲಿಸ್ತಾನಿಗಳು, ಭಯೋತ್ಪಾದಕರು, ಉಗ್ರಗಾಮಿಗಳು, ನಗರ ನಕ್ಸಲರು, ದೇಶದ್ರೋಹಿಗಳು ಅಥವಾ ‘ ತುಕಡೆ ತುಕಡೆ ಗುಂಪುಗಳು’ ಇಲ್ಲ ಎನ್ನುವುದು ಸ್ಪಷ್ಟವಾಗಿದೆ. ಏಕೆಂದರೆ ಈ ಹೋರಾಟಗಾರರೊಡನೆ ಕೇಂದ್ರ ಸಚಿವರು ಭೋಜನದ ಸವಿ ಉಂಡಿದ್ದಾರೆ. ಆದರೂ ಈ ನೊಂದ ಜೀವಗಳಿಗೆ ಒಂದು ಮಾನವೀಯ ಸ್ಪಂದನೆ, ಅವರ ಸಮಸ್ಯೆಗಳಿಗೆ ಸಂವೇದನಾಶೀಲ ಸ್ಪರ್ಶ ದೊರೆಯುತ್ತಿಲ್ಲ.
ಈ ಹೋರಾಟ ತಡೆಯಲಸಾಧ್ಯವಾದ ಚಳಿಯಲ್ಲಿ ನಡೆಯುತ್ತಿದೆ, ಕಳೆದ ಹಲವು ದಿನಗಳಿಂದ ಮಳೆಯ ಪ್ರಮಾಣ, ಶೀತಲ ಗಾಳಿ ಹೆಚ್ಚಾಗಿದೆ. ಈಗಾಗಲೇ 50ಕ್ಕೂ ಹೆಚ್ಚು ರೈತರು ಅಸುನೀಗಿದ್ದಾರೆ. ಕೆಲವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೇಂದ್ರದಲ್ಲಿ ಒಂದು ಸರ್ವಾಧಿಕಾರಿ ಆಡಳಿತವೇ ಇದ್ದಿದ್ದರೂ ಬಹುಶಃ, ಮೂರು ಕೃಷಿ ಮಸೂದೆಗಳನ್ನು ಭಿನ್ನಾಭಿಪ್ರಾಯಗಳು ಬಗೆಹರಿಯುವವರೆಗೂ ಅಮಾನತಿನಲ್ಲಿರಿಸುವ ಆಶ್ವಾಸನೆ ನೀಡಿ ಮುಷ್ಕರ ಕೊನೆಗೊಳಿಸಲು ಯತ್ನಿಸುತ್ತಿತ್ತು.
ಆದರೆ ಒಂದು ಚುನಾಯಿತ ಸರ್ಕಾರ ಈ ಕನಿಷ್ಠ ಪ್ರಜ್ಞೆಯನ್ನೂ ಕಳೆದುಕೊಂಡಿದೆ. ಮುಷ್ಕರ ನಿರತ ರೈತರ ಬಳಿಗೆ ಖುದ್ದಾಗಿ ಒಮ್ಮೆ ಭೇಟಿ ನೀಡುವ ಸಂಯಮವೂ ಇಲ್ಲದ ಪ್ರಧಾನಮಂತ್ರಿ, ಕನಿಷ್ಟ ಮಡಿದ ರೈತರಿಗೆ ಅನುಕಂಪ ಸೂಚಿಸುವ ಮಾತುಗಳನ್ನೂ ಆಡದಿರುವುದು ಈ ದೇಶದ ಆಡಳಿತ ವ್ಯವಸ್ಥೆಯಲ್ಲಿ ಅಂತರ್ಗತವಾಗಿರುವ ಬೌದ್ಧಿಕ ಕ್ರೌರ್ಯವನ್ನು ಸೂಚಿಸುತ್ತದೆ.
ದೆಹಲಿ ಗಡಿಯಲ್ಲಿ ಸಂಭವಿಸಿರುವ ಸಾವುಗಳು ವ್ಯವಸ್ಥೆಯ ನಿಷ್ಕ್ರಿಯತೆಯ ಫಲ ಎಂದರೂ ತಪ್ಪೇನಿಲ್ಲ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಹಠಮಾರಿ ಧೋರಣೆ ಸಲ್ಲದು ಎನ್ನುವ ಕನಿಷ್ಟ ನಾಗರಿಕ ಪ್ರಜ್ಞೆ ಆಡಳಿತ ನಿರ್ವಹಣೆ ಮಾಡುವವರಲ್ಲಿ ಇರಬೇಕಲ್ಲವೇ ? ಹೆಂಗಸರು, ಮಕ್ಕಳು, ವೃದ್ಧರು, ಯುವಕರು, ನಿವೃತ್ತ ಯೋಧರು ಹೀಗೆ ವಯೋಮಾನ, ಲಿಂಗ, ಜಾತಿ, ಧರ್ಮ ಯಾವುದೇ ಬೇಧವಿಲ್ಲದೆ ರೈತರು ತಮ್ಮ ಹೋರಾಟ ಮುಂದುವರೆಸಿದ್ದಾರೆ.
ಕೊರೆವ ಚಳಿಯಲ್ಲಿ, ಸುರಿವ ಮಳೆಯ ನಡುವೆ ತಮ್ಮವರನ್ನು ಕಳೆದುಕೊಳ್ಳುತ್ತಿರುವ ರೈತರನ್ನು ಕುರಿತು “ ನೀವು ಮುಷ್ಕರ ಹಿಂಪಡೆಯಿರಿ, ನಿಮ್ಮ ಅನುಮಾನಗಳನ್ನು ಪರಿಶೀಲಿಸುತ್ತೇವೆ, ಅಲ್ಲಿಯವರೆಗೂ ಮೂರು ಕೃಷಿ ಮಸೂದೆಗಳ ಅನುಷ್ಟಾನವನ್ನು ತಡೆಹಿಡಿಯುತ್ತೇವೆ ” ಎಂದು ಹೇಳಿದ್ದರೂ ಸಾಕಿತ್ತು, ಈ ಸರ್ಕಾರಕ್ಕೆ ಮತ್ತು ಸರ್ಕಾರವನ್ನು ನಿರ್ವಹಿಸುವವರಿಗೆ ಮನುಷ್ಯತ್ವ ಇದೆ ಎಂದು ಹೇಳಬಹುದಿತ್ತು.
ಲಾಕ್ ಡೌನ್ ಸಂದರ್ಭದಲ್ಲಿ ಮಡಿದ 25ಕ್ಕೂ ಹೆಚ್ಚು ವಲಸೆ ಕಾರ್ಮಿಕರಿಗೆ ಪರಿಹಾರ ನೀಡಲೂ ಒಪ್ಪದ ಕೇಂದ್ರ ಸರ್ಕಾರ, ಈ ಕುರಿತ ಯಾವುದೇ ಮಾಹಿತಿ ಲಭ್ಯವಿಲ್ಲ ಎಂದು ಕೈತೊಳೆದುಕೊಂಡಿತ್ತು. ಈಗ ರಾಜಧಾನಿಯ ಪಕ್ಕದಲ್ಲೇ ರೈತರು ಸಾಯುತ್ತಿದ್ದಾರೆ, ನಮ್ಮ ಪ್ರಧಾನಮಂತ್ರಿಯವರು ತಮ್ಮ ಮನದ ಮಾತಿನಲ್ಲಿ ಮಾರುಕಟ್ಟೆಗೆ ಸಾಂತ್ವನದ ಮಾತುಗಳನ್ನಾಡುತ್ತಿದ್ದಾರೆ.
25 ವರ್ಷಗಳಲ್ಲಿ ಆತ್ಮಹತ್ಯೆಗೆ ಬಲಿಯಾದ ಮೂರೂವರೆ ಲಕ್ಷ ರೈತರಿಗೆ ಅನುಕಂಪ ತೋರದ ಆಡಳಿತ ವ್ಯವಸ್ಥೆಯಿಂದ ಇಲ್ಲಿ ಸತ್ತ 50 ರೈತರಿಗೆ ಸಾಂತ್ವನ ಬಯಸುವುದೂ ಸಹ ತಪ್ಪೇನೋ ಎನಿಸುತ್ತದೆ. ಅಸಂಖ್ಯಾತ ಜನರ ಮಾರಣಹೋಮಗಳನ್ನು ಸಂಭ್ರಮಿಸುತ್ತಾ, ಅಮಾಯಕರ ಸಮಾಧಿಗಳ ಮೇಲೆ ನುಣುಪಾದ ಹಾಸುಗಲ್ಲುಗಳನ್ನು ಹರಡಿ ಅಧಿಕಾರದ ಜಗನ್ನಾಥ ರಥಚಕ್ರಗಳನ್ನು ಉರುಳಿಸಿದ ಒಂದು ಪರಂಪರೆಯಿಂದ ಮಾನವೀಯ ಸ್ಪಂದನೆ, ಸಂವೇದನೆ ಮತ್ತು ಅನುಕಂಪ ನಿರೀಕ್ಷಿಸುವುದಾದರೂ ಹೇಗೆ ? ಅನ್ಯರ ನೋವಿನಿಂದ ವಿಚಲಿತಗೊಳ್ಳದ, ಮತ್ತೊಬ್ಬರ ಸಾವನ್ನು ಸಂಭ್ರಮಿಸುವ ಮನಸ್ಸುಗಳಷ್ಟೇ ಹೀಗಿರಲು ಸಾಧ್ಯ .
ಸ್ವತಂತ್ರ ಭಾರತದ ಇತಿಹಾಸದಲ್ಲಿ ಅತ್ಯಂತ ಕರಾಳ ಅಧ್ಯಾಯ ಎಂದು ಪರಿಗಣಿಸಲಾಗುವ ತುರ್ತುಪರಿಸ್ಥಿತಿಯ ಸಂದರ್ಭದಲ್ಲಿ ಪ್ರಭುತ್ವ ತನ್ನ ಪ್ರಜೆಗಳ ಮೇಲೆ ದೌರ್ಜನ್ಯ ನಡೆಸಿತ್ತು, ಹಕ್ಕುಗಳನ್ನು ಕಸಿದುಕೊಂಡಿತ್ತು. ಆದರೆ ಅಂದೂ ಸಹ ಈ ರೀತಿಯ ಬೌದ್ಧಿಕ ಕ್ರೌರ್ಯ ಮತ್ತು ಹಿಂಸೆ ಕಂಡುಬಂದಿರಲಿಲ್ಲ. ಕಣ್ಣೆದುರಿನಲ್ಲೇ ನಡೆಯುವ ಸಾವು ನೋವುಗಳಿಗೂ ಸ್ಪಂದಿಸದಿರುವಷ್ಟು ಕ್ರೌರ್ಯ ಭಾರತದ ಪ್ರಜೆಗಳು ಕಂಡಿರಲೂ ಇಲ್ಲ.
ಇಡೀ ದೇಶದ ಪ್ರಜ್ಞಾವಂತ ಮನಸುಗಳನ್ನು ವಿಚಲಿತಗೊಳಿಸುತ್ತಿರುವ ಸಾವು ನೋವಿನ ಚಿತ್ರಣಗಳು ಮನದ ಕದವ ಬಡಿಯದೆ ಇದ್ದರೆ ಆ ಮನದಿಂದ ಸಾಂತ್ವನದ, ಸಂವೇದನೆಯ ಮಾತುಗಳು ಬರುವುದಾದರೂ ಹೇಗೆ ? ಮೌನವೇ ಸಾಕು ಕ್ರೌರ್ಯದ ಛಾಯೆ ಕವಿಯಲು.
ದೆಹಲಿಯ ಗಡಿಯಲ್ಲಿ ಕವಿದಿರುವ ಕಾರ್ಮೋಡಗಳಲ್ಲಿ ತುಂಬಿರುವುದು ಜಲಬಿಂದುಗಳಲ್ಲ, ಈ ದೇಶದ ಆಡಳಿತ ವ್ಯವಸ್ಥೆಯ ಕ್ರೌರ್ಯ ಮತ್ತು ಅಮಾನುಷ ಧೋರಣೆಯ ಜಲಾಗಾರ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಕೆಪಿಸಿಸಿಯ ನೂತನ ಸಾರಥಿ ಬಿ.ಕೆ. ಹರಿಪ್ರಸಾದ್ ರಾಜಕೀಯ ಪಯಣ
ಕರ್ನಾಟಕ ಕಾಂಗ್ರೆಸ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದಾಗಿ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಮುಖ್ಯಮಂತ್ರಿ ಹುದ್ದೆಯನ್ನು ವಹಿಸಿಕೊಂಡ ಬಳಿಕ ಡಿ.ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಈ ಮಹತ್ವದ ಜವಾಬ್ದಾರಿಯನ್ನು ಬಿ.ಕೆ. ಹರಿಪ್ರಸಾದ್ ಅವರಿಗೆ ನೀಡಿದೆ.
ಈ ನೇಮಕ ಕೇವಲ ಸಂಘಟನಾತ್ಮಕ ಬದಲಾವಣೆಯಲ್ಲ. ಕರ್ನಾಟಕ ಕಾಂಗ್ರೆಸ್ನ ಮುಂದಿನ ರಾಜಕೀಯ ದಿಕ್ಕು, ಪಕ್ಷದ ಒಳಾಂಗಣ ಸಮತೋಲನ ಮತ್ತು ಭವಿಷ್ಯದ ಚುನಾವಣಾ ತಂತ್ರಗಳಿಗೆ ಇದು ಪ್ರಮುಖ ಸೂಚನೆಯಾಗಿದೆ. ಹಲವು ದಶಕಗಳ ರಾಜಕೀಯ ಅನುಭವ, ಸಂಘಟನಾ ಕೌಶಲ್ಯ ಮತ್ತು ಹೈಕಮಾಂಡ್ಗೆ ನಿಕಟ ಸಂಪರ್ಕ ಹೊಂದಿರುವ ಹರಿಪ್ರಸಾದ್ ಅವರು ಈಗ ರಾಜ್ಯ ಕಾಂಗ್ರೆಸ್ನ ನೂತನ ಸಾರಥಿಯಾಗಿ ಹೊರಹೊಮ್ಮಿದ್ದಾರೆ.
ಆರಂಭಿಕ ಜೀವನ ಮತ್ತು ಶಿಕ್ಷಣ
ಬಿ.ಕೆ. ಹರಿಪ್ರಸಾದ್ ಅವರು 1954ರ ಜುಲೈ 29ರಂದು ಬೆಂಗಳೂರಿನಲ್ಲಿ ಜನಿಸಿದರು. ತಂದೆ ಎ. ಕೆಂಪಯ್ಯ ಹಾಗೂ ತಾಯಿ ಕೆ. ಗುಣಾವತಿ. ಬಾಲ್ಯದಿಂದಲೇ ಸಾಮಾಜಿಕ ಮತ್ತು ರಾಜಕೀಯ ಚಟುವಟಿಕೆಗಳತ್ತ ಆಸಕ್ತಿ ಹೊಂದಿದ್ದ ಅವರು ಬೆಂಗಳೂರಿನ ಎಂ.ಇ.ಎಸ್. ಕಾಲೇಜಿನಲ್ಲಿ ಬಿ.ಕಾಂ ಪದವಿ ಶಿಕ್ಷಣ ಪಡೆದರು. ವಿದ್ಯಾರ್ಥಿ ಜೀವನದಲ್ಲಿಯೇ ಕಾಂಗ್ರೆಸ್ ಚಟುವಟಿಕೆಗಳೊಂದಿಗೆ ಗುರುತಿಸಿಕೊಂಡ ಅವರು ಮುಂದೆ ಪೂರ್ಣಾವಧಿ ರಾಜಕಾರಣಿಯಾಗಿ ಬೆಳೆದರು.
ವಿದ್ಯಾರ್ಥಿ ರಾಜಕಾರಣದಿಂದ ರಾಷ್ಟ್ರೀಯ ಮಟ್ಟದ ನಾಯಕತ್ವದವರೆಗೆ
ಹರಿಪ್ರಸಾದ್ ಅವರ ರಾಜಕೀಯ ಬದುಕು ವಿದ್ಯಾರ್ಥಿ ಕಾಂಗ್ರೆಸ್ ಮತ್ತು ಯುವ ಕಾಂಗ್ರೆಸ್ ಸಂಘಟನೆಗಳಿಂದ ಆರಂಭವಾಯಿತು. ಸಂಘಟನಾ ರಾಜಕಾರಣದಲ್ಲಿ ತೋರಿದ ಸಾಮರ್ಥ್ಯದಿಂದ ಅವರು ಶೀಘ್ರದಲ್ಲೇ ಪಕ್ಷದ ಹಿರಿಯ ನಾಯಕರ ಗಮನ ಸೆಳೆದರು.
ರಾಜ್ಯ ಮಟ್ಟದಲ್ಲಿ ಮಾತ್ರವಲ್ಲದೆ ರಾಷ್ಟ್ರೀಯ ಮಟ್ಟದಲ್ಲೂ ಕಾಂಗ್ರೆಸ್ ಸಂಘಟನೆಯಲ್ಲಿ ಪ್ರಮುಖ ಜವಾಬ್ದಾರಿಗಳನ್ನು ನಿರ್ವಹಿಸಿದ ಅವರು, ಹಲವು ರಾಜ್ಯಗಳ ಕಾಂಗ್ರೆಸ್ ವ್ಯವಹಾರಗಳ ಉಸ್ತುವಾರಿಯಾಗಿ ಕೆಲಸ ಮಾಡಿದ್ದಾರೆ. ಪಕ್ಷದ ಹೈಕಮಾಂಡ್ನೊಂದಿಗೆ ಉತ್ತಮ ಸಂಪರ್ಕ ಹೊಂದಿರುವ ನಾಯಕರಲ್ಲಿ ಹರಿಪ್ರಸಾದ್ ಪ್ರಮುಖರು ಎಂದು ಪರಿಗಣಿಸಲಾಗುತ್ತದೆ.
ಬಿ.ಕೆ. ಹರಿಪ್ರಸಾದ್ ಅವರು ಹಲವು ಬಾರಿ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. 1990ರಿಂದಲೇ ಅವರು ರಾಷ್ಟ್ರೀಯ ರಾಜಕಾರಣದಲ್ಲಿ ಸಕ್ರಿಯ ಪಾತ್ರ ವಹಿಸುತ್ತಾ ಬಂದಿದ್ದಾರೆ. ರಾಜ್ಯಸಭೆಯಲ್ಲಿ ಕಾಂಗ್ರೆಸ್ ಪರವಾಗಿ ಹಲವು ವಿಷಯಗಳ ಬಗ್ಗೆ ಧ್ವನಿ ಎತ್ತಿದ ಅವರು ಸಂಸತ್ತಿನ ಚರ್ಚೆಗಳಲ್ಲಿ ಗಮನ ಸೆಳೆದಿದ್ದರು.
ಅವರು ರಾಜ್ಯಸಭೆಯ ಉಪಸಭಾಪತಿ ಸ್ಥಾನಕ್ಕೆ ಪ್ರತಿಪಕ್ಷಗಳ ಒಕ್ಕೂಟದ ಅಭ್ಯರ್ಥಿಯಾಗಿಯೂ ಸ್ಪರ್ಧಿಸಿದ್ದರು. ಆ ಸಂದರ್ಭದಲ್ಲಿ ಎನ್ಡಿಎ ಅಭ್ಯರ್ಥಿ ಹರಿವಂಶ್ ನಾರಾಯಣ್ ಸಿಂಗ್ ವಿರುದ್ಧ ಪೈಪೋಟಿ ನಡೆಸಿದ್ದರು. ಸೋಲು ಕಂಡಿದ್ದರೂ ರಾಷ್ಟ್ರೀಯ ರಾಜಕೀಯದಲ್ಲಿ ಅವರ ಸ್ಥಾನಮಾನ ಮತ್ತಷ್ಟು ಬಲವತ್ತಾಯಿತು.
1999ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಬಿಜೆಪಿಯ ಹಿರಿಯ ನಾಯಕ ಅನಂತ್ ಕುಮಾರ್ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆ ಚುನಾವಣೆಯಲ್ಲಿ ಜಯ ಸಾಧಿಸಲು ಸಾಧ್ಯವಾಗದಿದ್ದರೂ ಅವರು ಕಾಂಗ್ರೆಸ್ನ ಪ್ರಮುಖ ಮುಖವಾಗಿ ಗುರುತಿಸಿಕೊಂಡರು.
ಸಂಘಟನಾ ರಾಜಕಾರಣದಲ್ಲಿ ಹೆಚ್ಚು ಸಕ್ರಿಯರಾಗಿದ್ದ ಕಾರಣ, ಚುನಾವಣಾ ಗೆಲುವಿಗಿಂತ ಪಕ್ಷ ನಿರ್ಮಾಣದಲ್ಲಿ ಅವರ ಪಾತ್ರವೇ ಹೆಚ್ಚು ಗಮನ ಸೆಳೆಯಿತು.
ಕಾಂಗ್ರೆಸ್ ಸಂಘಟನೆಯಲ್ಲಿ ‘ಟಾಸ್ಕ್ ಮಾಸ್ಟರ್’
ಕಾಂಗ್ರೆಸ್ ಪಕ್ಷದಲ್ಲಿ ಹರಿಪ್ರಸಾದ್ ಅವರನ್ನು ಸಂಘಟನಾ ತಜ್ಞ ಎಂದು ಕರೆಯಲಾಗುತ್ತದೆ. ಪಕ್ಷ ಎದುರಿಸಿದ ಸಂಕಷ್ಟದ ಸಂದರ್ಭಗಳಲ್ಲಿ ಹಲವು ರಾಜ್ಯಗಳಲ್ಲಿ ಜವಾಬ್ದಾರಿಗಳನ್ನು ನಿರ್ವಹಿಸಿ ಸಂಘಟನೆಯನ್ನು ಬಲಪಡಿಸಿದ ಅನುಭವ ಅವರಿಗೆ ಇದೆ.
ಇತ್ತೀಚಿನ ಅವಧಿಯಲ್ಲಿ ಅವರು ಹರಿಯಾಣ ಕಾಂಗ್ರೆಸ್ ಉಸ್ತುವಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ರಾಜ್ಯ ರಾಜಕೀಯದ ಸೂಕ್ಷ್ಮ ಸಮೀಕರಣಗಳನ್ನು ಅರ್ಥಮಾಡಿಕೊಳ್ಳುವ ಸಾಮರ್ಥ್ಯ ಮತ್ತು ಕಾರ್ಯಕರ್ತರೊಂದಿಗೆ ನೇರ ಸಂಪರ್ಕ ಸಾಧಿಸುವ ಶೈಲಿ ಅವರ ವಿಶೇಷತೆ ಎಂದು ಪಕ್ಷದ ನಾಯಕರು ಹೇಳುತ್ತಾರೆ.
ಕರ್ನಾಟಕ ಕಾಂಗ್ರೆಸ್ನಲ್ಲಿ ಹರಿಪ್ರಸಾದ್ ಅವರು ಹಲವು ದಶಕಗಳಿಂದ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಪಕ್ಷದ ಒಳಗಿನ ಭಿನ್ನಾಭಿಪ್ರಾಯಗಳ ಸಂದರ್ಭದಲ್ಲೂ ಅವರು ಸಮತೋಲನ ಸಾಧಿಸುವ ನಾಯಕನಾಗಿ ಕಾಣಿಸಿಕೊಂಡಿದ್ದಾರೆ.
ವಿಧಾನ ಪರಿಷತ್ ಸದಸ್ಯರಾಗಿ ಕಾರ್ಯನಿರ್ವಹಿಸಿರುವ ಅವರು, 2022 ರಿಂದ 2023ರವರೆಗೆ ಕರ್ನಾಟಕ ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕರಾಗಿಯೂ ಸೇವೆ ಸಲ್ಲಿಸಿದ್ದಾರೆ. ಸರ್ಕಾರದ ನೀತಿಗಳ ವಿರುದ್ಧ ಪರಿಣಾಮಕಾರಿ ಹೋರಾಟ ನಡೆಸುವ ಮೂಲಕ ಅವರು ಗಮನ ಸೆಳೆದಿದ್ದರು.
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ
2026ರಲ್ಲಿ ಕರ್ನಾಟಕ ರಾಜಕೀಯದಲ್ಲಿ ನಡೆದ ನಾಯಕತ್ವ ಬದಲಾವಣೆಯ ಬಳಿಕ ಮುಖ್ಯಮಂತ್ರಿ ಹುದ್ದೆಯನ್ನು ಡಿ.ಕೆ. ಶಿವಕುಮಾರ್ ವಹಿಸಿಕೊಂಡರು. ಇದರ ಪರಿಣಾಮವಾಗಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ತೆರವಾಗಿತ್ತು. ಪಕ್ಷದೊಳಗೆ ಹಲವು ನಾಯಕರ ಹೆಸರುಗಳು ಕೇಳಿಬಂದಿದ್ದರೂ ಅಂತಿಮವಾಗಿ ಕಾಂಗ್ರೆಸ್ ಹೈಕಮಾಂಡ್ ಬಿ.ಕೆ. ಹರಿಪ್ರಸಾದ್ ಅವರನ್ನು ಆಯ್ಕೆ ಮಾಡಿತು.
ಈ ನಿರ್ಧಾರವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಹೈಕಮಾಂಡ್ ಸಂಘಟನಾ ದೃಷ್ಟಿಯಿಂದ ಮಹತ್ವದ ಹೆಜ್ಜೆಯಾಗಿ ಪರಿಗಣಿಸಿದೆ. ಪಕ್ಷದ ಸರ್ಕಾರ ಮತ್ತು ಪಕ್ಷ ಸಂಘಟನೆಯ ನಡುವೆ ಸಮತೋಲನ ಕಾಯ್ದುಕೊಳ್ಳಲು ಹರಿಪ್ರಸಾದ್ ಅವರ ಅನುಭವ ನೆರವಾಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.
ಬಿ.ಕೆ. ಹರಿಪ್ರಸಾದ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡುವ ಹಿಂದೆ ಹಲವು ರಾಜಕೀಯ ಕಾರಣಗಳಿವೆ. ಮೊದಲನೆಯದಾಗಿ, ಅವರು ಯಾವುದೇ ಒಂದು ಗುಂಪಿಗೆ ಸೀಮಿತವಾಗದ ನಾಯಕ ಎಂಬ ಚಿತ್ರಣ ಹೊಂದಿದ್ದಾರೆ. ಎರಡನೆಯದಾಗಿ, ಸಂಘಟನಾ ಅನುಭವ ಅಪಾರವಾಗಿದೆ. ಮೂರನೆಯದಾಗಿ, ಹೈಕಮಾಂಡ್ಗೆ ಅತ್ಯಂತ ವಿಶ್ವಾಸಾರ್ಹ ನಾಯಕರಲ್ಲಿ ಒಬ್ಬರು. ನಾಲ್ಕನೆಯದಾಗಿ, ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳು ಮತ್ತು ಮುಂದಿನ ವಿಧಾನಸಭಾ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ಸಾಮರ್ಥ್ಯ ಅವರಿಗಿದೆ ಎಂದು ಕಾಂಗ್ರೆಸ್ ನಾಯಕತ್ವ ನಂಬಿದೆ.
ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಅವರ ಮುಂದಿರುವ ಸವಾಲುಗಳು ಸಣ್ಣದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದರೂ ಸಂಘಟನೆಯನ್ನು ಸದೃಢವಾಗಿಡುವುದು ದೊಡ್ಡ ಜವಾಬ್ದಾರಿ. ಕಾರ್ಯಕರ್ತರ ಅಸಮಾಧಾನ, ಸಚಿವ ಸ್ಥಾನಾಕಾಂಕ್ಷಿಗಳ ಒತ್ತಡ, ಪ್ರಾದೇಶಿಕ ಸಮೀಕರಣಗಳು ಮತ್ತು ಜಾತಿ ಆಧಾರಿತ ರಾಜಕೀಯ ಬೇಡಿಕೆಗಳನ್ನು ಸಮತೋಲನಗೊಳಿಸಬೇಕಾಗಿದೆ.
ಇದರ ಜೊತೆಗೆ ಬಿಜೆಪಿ ಹಾಗೂ ಜೆಡಿಎಸ್ ವಿರುದ್ಧ ಕಾಂಗ್ರೆಸ್ ಸಂಘಟನೆಯನ್ನು ನಿರಂತರ ಚಟುವಟಿಕೆಯಲ್ಲಿ ಇರಿಸುವುದು ಅವರ ಪ್ರಮುಖ ಗುರಿಯಾಗಲಿದೆ.
ಹರಿಪ್ರಸಾದ್ ಅವರು ಹೆಚ್ಚು ಪ್ರಚಾರಪ್ರಿಯ ರಾಜಕಾರಣಿಯಲ್ಲ. ಸಂಘಟನೆಯೊಳಗೆ ಕೆಲಸ ಮಾಡುವ ನಾಯಕ ಎಂಬ ಹೆಗ್ಗಳಿಕೆ ಅವರಿಗೆ ಇದೆ. ಕಾರ್ಯಕರ್ತರೊಂದಿಗೆ ನೇರ ಸಂಪರ್ಕ, ಹಂತ ಹಂತವಾಗಿ ಸಮಸ್ಯೆಗಳಿಗೆ ಪರಿಹಾರ ಮತ್ತು ತಾಳ್ಮೆಯ ರಾಜಕೀಯ ಅವರ ಕಾರ್ಯಶೈಲಿಯ ಮುಖ್ಯ ಲಕ್ಷಣಗಳು.
ಅವರ ರಾಜಕೀಯ ಜೀವನದಲ್ಲಿ ಅನೇಕ ಏರಿಳಿತಗಳು ಬಂದಿದ್ದರೂ ಪಕ್ಷದ ಮೇಲಿನ ನಿಷ್ಠೆ ಪ್ರಶ್ನಾತೀತವಾಗಿದೆ. ಇದೇ ಕಾರಣಕ್ಕೆ ಕಾಂಗ್ರೆಸ್ ಹೈಕಮಾಂಡ್ ಹಲವು ಬಾರಿ ಅವರಿಗೆ ಪ್ರಮುಖ ಜವಾಬ್ದಾರಿಗಳನ್ನು ನೀಡಿದೆ.
ರಾಜಕೀಯದ ಜೊತೆಗೆ ಸರಳ ಜೀವನಶೈಲಿಗೆ ಹೆಸರುವಾಸಿಯಾಗಿರುವ ಹರಿಪ್ರಸಾದ್ ಅವರು ಉಷಾ ಅವರೊಂದಿಗೆ ದಾಂಪತ್ಯ ಜೀವನ ನಡೆಸುತ್ತಿದ್ದಾರೆ. ಅವರಿಗೆ ಒಬ್ಬ ಪುತ್ರಿಯಿದ್ದಾರೆ. ಕುಟುಂಬ ಜೀವನವನ್ನು ರಾಜಕೀಯದಿಂದ ಸಾಧ್ಯವಾದಷ್ಟು ದೂರ ಇಡುವ ನಾಯಕ ಎಂಬ ಹೆಸರನ್ನು ಅವರು ಗಳಿಸಿದ್ದಾರೆ.
ಭವಿಷ್ಯದ ರಾಜಕೀಯ ಪಾತ್ರ
ಕೆಪಿಸಿಸಿ ಅಧ್ಯಕ್ಷ ಸ್ಥಾನ ಹರಿಪ್ರಸಾದ್ ಅವರ ರಾಜಕೀಯ ಜೀವನದ ಮತ್ತೊಂದು ಮಹತ್ವದ ಅಧ್ಯಾಯವಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸರ್ಕಾರ ಮತ್ತು ಪಕ್ಷ ಸಂಘಟನೆಯ ನಡುವೆ ಸಮನ್ವಯ ಸಾಧಿಸುವಲ್ಲಿ ಅವರ ಪಾತ್ರ ನಿರ್ಣಾಯಕವಾಗಲಿದೆ.
ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷದ ರಾಜ್ಯ ಮಟ್ಟದ ತಂತ್ರ ರೂಪಿಸುವುದು, ಕಾರ್ಯಕರ್ತರ ಬಲವರ್ಧನೆ, ಚುನಾವಣಾ ಸಿದ್ಧತೆ ಮತ್ತು ಹೈಕಮಾಂಡ್ನೊಂದಿಗೆ ಸಮನ್ವಯ ಸಾಧಿಸುವ ಪ್ರಮುಖ ಹೊಣೆಗಾರಿಕೆ ಅವರ ಮೇಲಿದೆ. ಈ ಎಲ್ಲ ಸವಾಲುಗಳನ್ನು ಅವರು ಹೇಗೆ ನಿಭಾಯಿಸುತ್ತಾರೆ ಎಂಬುದರ ಮೇಲೆ ಕರ್ನಾಟಕ ಕಾಂಗ್ರೆಸ್ನ ಮುಂದಿನ ರಾಜಕೀಯ ಭವಿಷ್ಯ ಬಹುಮಟ್ಟಿಗೆ ಅವಲಂಬಿತವಾಗಿದೆ.
ಸುಮಾರು ನಾಲ್ಕು ದಶಕಗಳಿಗಿಂತಲೂ ಹೆಚ್ಚು ಕಾಲ ಕಾಂಗ್ರೆಸ್ ಸಂಘಟನೆಯಲ್ಲಿ ದುಡಿದಿರುವ ಬಿ.ಕೆ. ಹರಿಪ್ರಸಾದ್ ಇಂದು ಕರ್ನಾಟಕ ಕಾಂಗ್ರೆಸ್ನ ಅತ್ಯುನ್ನತ ಸಂಘಟನಾ ಹುದ್ದೆಯನ್ನು ಅಲಂಕರಿಸಿದ್ದಾರೆ. ವಿದ್ಯಾರ್ಥಿ ರಾಜಕಾರಣದಿಂದ ಆರಂಭವಾದ ಅವರ ಪಯಣ ರಾಜ್ಯಸಭೆ, ರಾಷ್ಟ್ರೀಯ ಸಂಘಟನೆ, ವಿಧಾನ ಪರಿಷತ್ ಮತ್ತು ಇದೀಗ ಕೆಪಿಸಿಸಿ ಅಧ್ಯಕ್ಷ ಸ್ಥಾನವರೆಗೆ ತಲುಪಿದೆ.
ಅನುಭವ, ಸಂಘಟನಾ ಕೌಶಲ್ಯ, ರಾಜಕೀಯ ಪ್ರೌಢಿಮೆ ಮತ್ತು ಪಕ್ಷದ ಮೇಲಿನ ನಿಷ್ಠೆ ಎಂಬ ನಾಲ್ಕು ಅಂಶಗಳು ಅವರ ರಾಜಕೀಯ ವ್ಯಕ್ತಿತ್ವದ ಪ್ರಮುಖ ಗುರುತುಗಳಾಗಿವೆ. ಕರ್ನಾಟಕ ಕಾಂಗ್ರೆಸ್ ಹೊಸ ರಾಜಕೀಯ ಹಾದಿಯಲ್ಲಿ ಸಾಗುತ್ತಿರುವ ಈ ಸಂದರ್ಭದಲ್ಲಿ, ಬಿ.ಕೆ. ಹರಿಪ್ರಸಾದ್ ಅವರ ನಾಯಕತ್ವ ಪಕ್ಷಕ್ಕೆ ಹೊಸ ಶಕ್ತಿ ತುಂಬುತ್ತದೆಯೇ ಎಂಬುದನ್ನು ರಾಜ್ಯದ ರಾಜಕೀಯ ಕುತೂಹಲದಿಂದ ಗಮನಿಸುತ್ತಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ನೀಟ್ ಸೃಷ್ಟಿಸಿದ ಅವಾಂತರಗಳು ಮತ್ತು ಅದರ ಬಹುಮುಖಿ ಬಿಕ್ಕಟ್ಟುಗಳು: ಒಂದು ವಿಮರ್ಶಾತ್ಮಕ ನೋಟ
~ಡಾ.ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ
ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET) ಭಾರತದ ವೈದ್ಯಕೀಯ ಶಿಕ್ಷಣ ರಂಗದಲ್ಲಿ ಏಕರೂಪತೆ ಮತ್ತು ಪಾರದರ್ಶಕತೆಯನ್ನು ತರುವ ಆಶಯದೊಂದಿಗೆ ಜಾರಿಗೆ ಬಂದರೂ, ಪ್ರಾಯೋಗಿಕವಾಗಿ ಅದು ದೇಶದ ಸಾಮಾಜಿಕ, ರಾಜಕೀಯ ಮತ್ತು ಶೈಕ್ಷಣಿಕ ನೆಲೆಗಳಲ್ಲಿ ತೀವ್ರ ಸ್ವರೂಪದ ಬಿಕ್ಕಟ್ಟುಗಳನ್ನು ಸೃಷ್ಟಿಸಿದೆ. ಕೇವಲ ಒಂದು ತಾಂತ್ರಿಕ ಪ್ರವೇಶ ಪರೀಕ್ಷೆಯಾಗಿ ಕಾಣುವ ಈ ವ್ಯವಸ್ಥೆಯು, ವಾಸ್ತವದಲ್ಲಿ ಭಾರತದ ಬಹುಸಂಸ್ಕೃತಿ ಮತ್ತು ಒಕ್ಕೂಟ ತತ್ತ್ವದ ಆಳವಾದ ರಚನೆಗಳ ಮೇಲೆ ಪ್ರಹಾರ ನಡೆಸುತ್ತಿದೆ. ಗುಣಮಟ್ಟದ ಶಿಕ್ಷಣದ ಹೆಸರಿನಲ್ಲಿ ತರಲಾದ ಈ ಕೇಂದ್ರೀಕೃತ ಮಾದರಿಯು ಹೇಗೆ ಸಾಮಾನ್ಯ ವಿದ್ಯಾರ್ಥಿ ಸಮೂಹವನ್ನು ಶೈಕ್ಷಣಿಕ ಪ್ರಕ್ರಿಯೆಯಿಂದ ಹೊರದೂಡುತ್ತಿದೆ, ಪ್ರಾದೇಶಿಕ ಸ್ವಾಯತ್ತತೆಯನ್ನು ಧ್ವಂಸಗೊಳಿಸುತ್ತಿದೆ ಮತ್ತು ಸಾಂಪ್ರದಾಯಿಕ ಶ್ರೇಣೀಕೃತ ಅಸಮಾನತೆಗಳನ್ನು ಆಧುನಿಕ ರೂಪದಲ್ಲಿ ಮರುಸ್ಥಾಪಿಸುತ್ತಿದೆ ಎಂಬುದನ್ನು ಸಾಮಾಜಿಕ ನ್ಯಾಯ ಮತ್ತು ವಿಮರ್ಶಾತ್ಮಕ ಸಿದ್ಧಾಂತಗಳ ಹಿನ್ನೆಲೆಯಲ್ಲಿ ವಿವರವಾಗಿ ವಿಶ್ಲೇಷಿಸಬೇಕಾಗಿದೆ.
1. ತಾರತಮ್ಯದ ಆರ್ಥಿಕ ಮತ್ತು ಪಠ್ಯಕ್ರಮದ ನೆಲೆಗಳು (Socio-Economic and Curricular Discrimination)
ನೀಟ್ ಪರೀಕ್ಷೆಯು “ಎಲ್ಲರಿಗೂ ಸಮಾನ ಅವಕಾಶ” ಎಂಬ ಭ್ರಮೆಯನ್ನು ಸೃಷ್ಟಿಸುತ್ತದೆಯಾದರೂ, ಅದರ ಒಳಗಣ್ಣು ಕೇವಲ ಒಂದು ನಿರ್ದಿಷ್ಟ ವರ್ಗದ ಪರವಾಗಿ ಕೆಲಸ ಮಾಡುತ್ತಿದೆ. ಈ ಪರೀಕ್ಷಾ ಪದ್ಧತಿಯು ಭಾರತೀಯ ಸಮಾಜದಲ್ಲಿ ಹೊಸದೊಂದು ಆರ್ಥಿಕ ತಾರತಮ್ಯವನ್ನು ಕಾನೂನುಬದ್ಧಗೊಳಿಸಿದೆ. ಇಂದು ನೀಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದು ಕೇವಲ ವಿದ್ಯಾರ್ಥಿಯ ಪ್ರತಿಭೆಯನ್ನಷ್ಟೇ ಅವಲಂಬಿಸಿಲ್ಲ, ಬದಲಿಗೆ ಆ ಪೋಷಕರ ಆರ್ಥಿಕ ಸೌಲಭ್ಯವನ್ನು ಅವಲಂಬಿಸಿದೆ. ಲಕ್ಷಾಂತರ ರೂಪಾಯಿ ಶುಲ್ಕ ವಸೂಲಿ ಮಾಡುವ ಕಾರ್ಪೊರೇಟ್ ಕೋಚಿಂಗ್ ಉದ್ಯಮದ (Coaching Industry) ಹಬ್ಗಳಾದ ಹಲವಾರು ಪ್ರತಿಷ್ಠಿತ ಕೇಂದ್ರಗಳಿಗೆ ಪ್ರವೇಶ ಪಡೆಯಲು ಸಾಧ್ಯವಾಗದ ಬಡ ಮತ್ತು ಕೆಳಮಧ್ಯಮ ವರ್ಗದ ಗ್ರಾಮೀಣ ವಿದ್ಯಾರ್ಥಿಗಳು ಸ್ಪರ್ಧೆಯ ಆರಂಭಿಕ ಹಂತದಲ್ಲೇ ಸೋಲಿಸಲ್ಪಡುತ್ತಿದ್ದಾರೆ. ಇದರೊಂದಿಗೆ, ಪಠ್ಯಕ್ರಮದ ತಾರತಮ್ಯವು ಈ ಬಿಕ್ಕಟ್ಟನ್ನು ಮತ್ತಷ್ಟು ತೀವ್ರಗೊಳಿಸಿದೆ. ದೇಶದ ವೈವಿಧ್ಯಮಯ ರಾಜ್ಯಗಳು ತಮ್ಮದೇ ಆದ ಸಾಂಸ್ಕೃತಿಕ ಮತ್ತು ಪ್ರಾದೇಶಿಕ ಅಗತ್ಯಗಳಿಗನುಗುಣವಾಗಿ ರೂಪಿಸಿಕೊಂಡ ರಾಜ್ಯ ಪಠ್ಯಕ್ರಮಗಳನ್ನು (State Syllabus) ಸಂಪೂರ್ಣವಾಗಿ ನಿರ್ಲಕ್ಷಿಸಿ, ಕೇವಲ ಸಿಬಿಎಸ್ಇ (NCERT) ಪಠ್ಯಕ್ರಮವನ್ನು ಮಾತ್ರ ಮಾನದಂಡವಾಗಿರಿಸಿಕೊಳ್ಳಲಾಗಿದೆ. ಇದು ಪ್ರಾದೇಶಿಕ ಭಾಷಾ ಮಾಧ್ಯಮಗಳಲ್ಲಿ ಮತ್ತು ಸರ್ಕಾರಿ ಶಾಲೆಗಳಲ್ಲಿ ಓದಿದ ಸಮಾಜದ ಕಟ್ಟಕಡೆಯ ವಿದ್ಯಾರ್ಥಿಗಳನ್ನು ವೈದ್ಯಕೀಯ ಶಿಕ್ಷಣದ ಕನಸಿನಿಂದಲೇ ವಂಚಿಸುವ ವ್ಯವಸ್ಥಿತ ತಾರತಮ್ಯವಾಗಿದೆ.
2. ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ವ್ಯವಸ್ಥೆಯ ವಿಶ್ವಾಸಾರ್ಹತೆಯ ಕುಸಿತ
ಕೇಂದ್ರೀಕೃತ ಪರೀಕ್ಷಾ ವ್ಯವಸ್ಥೆಯು ಅತ್ಯಂತ ಸುರಕ್ಷಿತ ಮತ್ತು ಭ್ರಷ್ಟಾಚಾರ ಮುಕ್ತ ಎಂಬ ವಾದವನ್ನು ನೀಟ್ ಪರೀಕ್ಷೆಯ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆಗಳು (Paper Leaks) ಮತ್ತು ಅಕ್ರಮಗಳು ಸಂಪೂರ್ಣವಾಗಿ ಬೆತ್ತಲೆಗೊಳಿಸಿವೆ. ಇಡೀ ದೇಶಕ್ಕೆ ಒಂದೇ ಪರೀಕ್ಷೆ ಎಂಬ ಹಠದ ಪರಿಣಾಮವಾಗಿ, ಪ್ರಶ್ನೆ ಪತ್ರಿಕೆಗಳು ವ್ಯವಸ್ಥಿತ ಜಾಲಗಳ ಮೂಲಕ ಕೋಟ್ಯಂತರ ರೂಪಾಯಿಗಳಿಗೆ ಮಾರಾಟವಾಗುತ್ತಿರುವುದು ಪರೀಕ್ಷಾ ಮಂಡಳಿಗಳ ಸಾಂಸ್ಥಿಕ ವಿಫಲತೆಯನ್ನು ಎತ್ತಿ ತೋರಿಸುತ್ತದೆ. ಪ್ರಾಮಾಣಿಕವಾಗಿ ಹಗಲಿರುಳು ಶ್ರಮಿಸಿದ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳ ಭವಿಷ್ಯವು, ಕಪ್ಪುಹಣ ಮತ್ತು ರಾಜಕೀಯ ಪ್ರಭಾವ ಬಳಸಿ ಪ್ರಶ್ನೆ ಪತ್ರಿಕೆಯನ್ನು ಮೊದಲೇ ಖರೀದಿಸುವ ಪ್ರಭಾವಿ ತರಬೇತಿ ಕೇಂದ್ರಗಳು ಹಾಗೂ ದಲ್ಲಾಳಿಗಳ ಪಾಲಾಗುತ್ತಿದೆ. ಇಂತಹ ವ್ಯವಸ್ಥಿತ ಹಗರಣಗಳು ಕೇವಲ ಅರ್ಹ ವಿದ್ಯಾರ್ಥಿಗಳಿಗೆ ಮಾಡುವ ಅನ್ಯಾಯವಷ್ಟೇ ಅಲ್ಲ; ಇಡೀ ಶೈಕ್ಷಣಿಕ ಆಡಳಿತದ ಮೇಲಿರುವ ಸಾರ್ವಜನಿಕ ವಿಶ್ವಾಸಾರ್ಹತೆಯನ್ನೇ ಧ್ವಂಸಗೊಳಿಸಿವೆ. ಪಾರದರ್ಶಕತೆಯ ಹೆಸರಿನಲ್ಲಿ ತರಲಾದ ವ್ಯವಸ್ಥೆಯು ಇಂದು ಭ್ರಷ್ಟಾಚಾರದ ಅತಿ ದೊಡ್ಡ ಆಡುಂಬೊಲವಾಗಿ ಮಾರ್ಪಟ್ಟಿರುವುದು ಈ ಪರೀಕ್ಷಾ ಮಾದರಿಯ ನೈತಿಕ ಪತನಕ್ಕೆ ಸಾಕ್ಷಿಯಾಗಿದೆ.
3. ವ್ಯವಸ್ಥೆ ಸೃಷ್ಟಿಸಿದ ಆತ್ಮಹತ್ಯೆಗಳು ಮತ್ತು ಮಾನಸಿಕ ಹಿಂಸೆ (Institutional Tragedies and Mental Trauma)
ನೀಟ್ ಹೇರಿರುವ ಕಠಿಣ ಪರೀಕ್ಷಾ ಸ್ವರೂಪ ಮತ್ತು ಪದೇಪದೇ ಉಂಟಾಗುವ ಸಾಂಸ್ಥಿಕ ಲೋಪಗಳು ದೇಶದ ಯುವ ಸಮುದಾಯದ ಮೇಲೆ ಅಭೂತಪೂರ್ವ ಮಾನಸಿಕ ಒತ್ತಡವನ್ನು ಸೃಷ್ಟಿಸಿವೆ. ಇವು ಕೇವಲ ವೈಯಕ್ತಿಕ ವೈಫಲ್ಯದ ಸಾವುಗಳಲ್ಲ, ಬದಲಿಗೆ ಇವುಗಳನ್ನು “ಸಾಂಸ್ಥಿಕ ಕೊಲೆಗಳು” (Institutional Murders) ಎಂದು ಕರೆಯಬೇಕಾಗುತ್ತದೆ. ವಿದ್ಯಾರ್ಥಿಯೊಬ್ಬನ ಸುದೀರ್ಘ ವರ್ಷಗಳ ಶ್ರಮ, ಅರ್ಹತೆ ಮತ್ತು ಇಡೀ ಬದುಕಿನ ಸಾಮರ್ಥ್ಯವನ್ನು ಕೇವಲ ಮೂರು ಗಂಟೆಗಳ ಒಂದು ಅಮಾನವೀಯ ವಸ್ತುನಿಷ್ಠ (MCQ) ಪರೀಕ್ಷೆಯಲ್ಲಿ ನಿರ್ಧರಿಸುವ ಕ್ರೂರ ನಡೆ ಇದು. ಕೃಷಿ ಅಥವಾ ಶ್ರಮಿಕ ಹಿನ್ನೆಲೆಯಿಂದ ಬಂದ ಪೋಷಕರು ತಮ್ಮ ಇಡೀ ಜೀವಮಾನದ ದುಡಿಮೆಯನ್ನು ಸಾಲದ ರೂಪದಲ್ಲಿ ಸುರಿದು ಮಕ್ಕಳನ್ನು ಓದಿಸುತ್ತಿರುವಾಗ, ಆ ಸಾಲದ ಹೊರೆ, ಪರೀಕ್ಷಾ ಅಕ್ರಮಗಳ ಆತಂಕ ಮತ್ತು ಸಾಮಾಜಿಕ ನಿರೀಕ್ಷೆಗಳು ವಿದ್ಯಾರ್ಥಿಗಳ ಮೇಲೆ ಅತಿಯಾದ ಮಾನಸಿಕ ಹಿಂಸೆಯಾಗಿ ರೂಪಾಂತರಗೊಳ್ಳುತ್ತವೆ. ತಮಿಳುನಾಡಿನ ಅನಿತ್ಯಾಳಿಂದ ಹಿಡಿದು ದೇಶದ ನೂರಾರು ಪ್ರತಿಭಾವಂತ ಗ್ರಾಮೀಣ ವಿದ್ಯಾರ್ಥಿ ಹಾಗೂ ಕೋಟಾದಲ್ಲಿ ತರಬೇತಿ ಪಡೆಯುತ್ತಿದ್ದ ಅಭ್ಯರ್ಥಿಗಳ ಸಾಲು ಸಾಲು ಆತ್ಮಹತ್ಯೆಗಳು ಈ ಕಠಿಣ ಶೈಕ್ಷಣಿಕ ವ್ಯವಸ್ಥೆಯ ಕ್ರೂರತೆಗೆ ಸಾಕ್ಷಿಯಾಗಿವೆ. ಪರೀಕ್ಷೆಯಲ್ಲಿ ಅನುತ್ತೀರ್ಣರಾಗುವುದನ್ನು ಇಡೀ ಬದುಕಿನ ಸೋಲು ಎಂಬಂತೆ ಬಿಂಬಿಸುವ ಇಂತಹ ಮಾರುಕಟ್ಟೆ ಕೇಂದ್ರಿತ ವ್ಯವಸ್ಥೆಯು, ಶಿಕ್ಷಣದ ಮೂಲ ಆಶಯವಾದ ವ್ಯಕ್ತಿತ್ವ ವಿಕಸನವನ್ನು ಕೊಲೆ ಮಾಡಿ ಯುವ ಮನಸ್ಸುಗಳಲ್ಲಿ ಕೀಳರಿಮೆ ಹಾಗೂ ತೀವ್ರ ಖಿನ್ನತೆಯನ್ನು ಬಿತ್ತುತ್ತಿದೆ.
4. ಪ್ರಾದೇಶಿಕ ಪ್ರಾಬಲ್ಯ ಮತ್ತು ಒಕ್ಕೂಟ ವ್ಯವಸ್ಥೆಯ ಮೇಲಿನ ಪ್ರಹಾರ
ಭಾರತೀಯ ಸಂವಿಧಾನದ ಆಶಯದಂತೆ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳು ಜಂಟಿ ಪಟ್ಟಿಯಲ್ಲಿದ್ದು (Concurrent List), ಪ್ರಾದೇಶಿಕ ಅಗತ್ಯಗಳಿಗೆ ತಕ್ಕಂತೆ ನೀತಿಗಳನ್ನು ರೂಪಿಸಿಕೊಳ್ಳುವ ಹಕ್ಕು ರಾಜ್ಯ ಸರ್ಕಾರಗಳಿಗಿದೆ. ಆದರೆ ನೀಟ್ ಪದ್ಧತಿಯು ರಾಜ್ಯಗಳ ಈ ಸಾಂವಿಧಾನಿಕ ಹಕ್ಕುಗಳನ್ನು ಸಂಪೂರ್ಣವಾಗಿ ಹರಣ ಮಾಡಿದೆ. ರಾಜ್ಯ ಸರ್ಕಾರಗಳು ತಮ್ಮ ತೆರಿಗೆದಾರರ ಹಣದಿಂದ, ತಮ್ಮದೇ ಭೂಮಿಯಲ್ಲಿ ನಿರ್ಮಿಸಿದ ವೈದ್ಯಕೀಯ ಕಾಲೇಜುಗಳ ಸೀಟುಗಳ ಮೇಲಿನ ನಿಯಂತ್ರಣವನ್ನು ಕೇಂದ್ರದ ಏಜೆನ್ಸಿಯೊಂದು ಕಸಿದುಕೊಂಡಿರುವುದು ಒಕ್ಕೂಟ ವ್ಯವಸ್ಥೆಯ (Federalism) ಮೇಲಿನ ಗಂಭೀರ ಪ್ರಹಾರವಾಗಿದೆ. ಇದರ ಪರಿಣಾಮವಾಗಿ, ಸ್ಥಳೀಯ ಭಾಷೆ, ಸಂಸ್ಕೃತಿ ಮತ್ತು ಸಾಂಸ್ಕೃತಿಕ ಸೂಕ್ಷ್ಮತೆಗಳ ಅರಿವಿಲ್ಲದ ಭಿನ್ನ ಪ್ರಾಂತ್ಯಗಳ ವಿದ್ಯಾರ್ಥಿಗಳು ದಕ್ಷಿಣದ ಅಥವಾ ನಿರ್ದಿಷ್ಟ ರಾಜ್ಯಗಳ ಗ್ರಾಮೀಣ ಕೋಟಾಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಸ್ಥಳೀಯ ರೋಗಿಗಳೊಂದಿಗೆ ಭಾಷಾ ಸಂವಹನ ನಡೆಸಲಾಗದ ಇಂತಹ ವೈದ್ಯರಿಂದಾಗಿ ಗ್ರಾಮೀಣ ಸಾರ್ವಜನಿಕ ಆರೋಗ್ಯ ರಕ್ಷಣಾ ವ್ಯವಸ್ಥೆಯು (Public Healthcare) ಸಂಪೂರ್ಣವಾಗಿ ದುರ್ಬಲಗೊಳ್ಳುತ್ತಿದೆ. ಸ್ಥಳೀಯ ಸಮುದಾಯಗಳ ಅಗತ್ಯಗಳಿಗೆ ಸ್ಪಂದಿಸುವ ಮತ್ತು ಗ್ರಾಮೀಣ ಭಾಗಗಳಲ್ಲಿ ಸೇವೆ ಸಲ್ಲಿಸಲು ಸಿದ್ಧರಿರುವ ವೈದ್ಯರ ಲಭ್ಯತೆಯನ್ನು ಕಡಿತಗೊಳಿಸುವ ಮೂಲಕ ಈ ವ್ಯವಸ್ಥೆಯು ಪ್ರಾದೇಶಿಕ ಜನಸಂಖ್ಯಾಶಾಸ್ತ್ರ ಮತ್ತು ಆರೋಗ್ಯ ಸಮತೋಲನವನ್ನು ಏರುಪೇರು ಮಾಡಿದೆ.
5. ಜಾತೀಯತೆಯ ಕರಾಳತೆ ಮತ್ತು ಯಜಮಾನಿಕೆಯ ಮರುಸ್ಥಾಪನೆ (Perpetuation of Caste Hegemony)
ಸಮಕಾಲೀನ ಸನ್ನಿವೇಶದಲ್ಲಿ ನೀಟ್ ಪರೀಕ್ಷೆಯು “ಮೆರಿಟ್” (Meritocracy) ಮತ್ತು “ಪ್ರತಿಭೆ” ಎಂಬ ಅತ್ಯಂತ ಆಕರ್ಷಕ ಮುಖವಾಡವನ್ನು ಧರಿಸಿ ಬಂದಿದೆ. ಆದರೆ, ವಿಮರ್ಶಾತ್ಮಕವಾಗಿ ನೋಡಿದಾಗ ಈ ‘ಮೆರಿಟ್’ ಎನ್ನುವುದು ಕೇವಲ ವೈಯಕ್ತಿಕ ಸಾಮರ್ಥ್ಯವಲ್ಲ, ಬದಲಿಗೆ ಅದು ತಲೆಮಾರುಗಳಿಂದ ಒಂದು ನಿರ್ದಿಷ್ಟ ವರ್ಗವು ಅನುಭವಿಸಿಕೊಂಡು ಬಂದ ಸಾಮಾಜಿಕ ಮತ್ತು ಸಾಂಸ್ಕೃತಿಕ ಬಂಡವಾಳದ (Cultural Capital) ಹೊಸ ರೂಪವೇ ಹೊರತು ಬೇರೇನಲ್ಲ. ಶತಶತಮಾನಗಳಿಂದ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿ, ಈಗಷ್ಟೇ ಮೊದಲ ತಲೆಮಾರಿನ ಶಿಕ್ಷಣ ಪಡೆಯುತ್ತಿರುವ ದಲಿತ, ಹಿಂದುಳಿದ ಮತ್ತು ಬುಡಕಟ್ಟು ಸಮುದಾಯಗಳ ವಿದ್ಯಾರ್ಥಿಗಳಿಗೆ ಆಧುನಿಕ ಇಂಗ್ಲಿಷ್ ತರಬೇತಿ, ದುಬಾರಿ ಕೋಚಿಂಗ್ ಅಥವಾ ಇತ್ತೀಚಿನ ಪತ್ರಿಕೆ ಸೋರಿಕೆಯಂತಹ ಕರಾಳ ದಂಧೆಗಳ ರಹಸ್ಯ ಜಾಲಗಳಿಗೆ ಪ್ರವೇಶ ಪಡೆಯುವ ಸಾಮಾಜಿಕ ಹಿನ್ನೆಲೆ ಇರುವುದಿಲ್ಲ. ನೀಟ್ ವ್ಯವಸ್ಥೆಯು ಇಂತಹ ಐತಿಹಾಸಿಕ ಅಸಮಾನತೆಗಳನ್ನು ಸಂಪೂರ್ಣವಾಗಿ ಕಣ್ಣುಮುಚ್ಚಿ ಕುಳಿತು, ಎಲ್ಲರನ್ನೂ ಒಂದೇ ತಕ್ಕಡಿಯಲ್ಲಿ ತೂಗುವ ಮೂಲಕ ಸಾಮಾಜಿಕ ನ್ಯಾಯ ಮತ್ತು ಮೀಸಲಾತಿಯ ಆಶಯಗಳನ್ನು ತಾಂತ್ರಿಕವಾಗಿ ತಲೆಕೆಳಗು ಮಾಡುತ್ತಿದೆ. ಇದರ ಪರಿಣಾಮವಾಗಿ, ವೈದ್ಯಕೀಯ ಕ್ಷೇತ್ರವು ಸಮಾಜದ ಬಹುಪಾಲು ಶ್ರಮಿಕ ಮತ್ತು ತಳಸಮುದಾಯಗಳ ಕೈತಪ್ಪಿ, ಮತ್ತೆ ಕೇವಲ ಆಯ್ದ ಕೆಲವು ಉನ್ನತ ವರ್ಗಗಳ ಯಜಮಾನಿಕೆಯ (Hegemony) ತಾಣವಾಗಿ ಬದಲಾಗುತ್ತಿದೆ. ಇದು ಸಾಂಪ್ರದಾಯಿಕ ಜಾತೀಯತೆಯ ಶ್ರೇಣೀಕೃತ ಕರಾಳತೆಯನ್ನು ಅತ್ಯಂತ ಸೂಕ್ಷ್ಮ ಹಾಗೂ ಆಧುನಿಕ ಶೈಕ್ಷಣಿಕ ನಿಯಮಗಳ ಮೂಲಕ ಪುನರುತ್ಪಾದಿಸುವ ಅಪಾಯಕಾರಿ ನೆಲೆಯಾಗಿದೆ.
6. ಸಮನ್ವಯದ ದಾರಿ….
ನೀಟ್ ಸೃಷ್ಟಿಸಿರುವ ಈ ಸಾಂಸ್ಥಿಕ, ಆರ್ಥಿಕ ಮತ್ತು ಸಾಮಾಜಿಕ ಅವಾಂತರಗಳು ನಮಗೆ ಶಿಕ್ಷಣ ವ್ಯವಸ್ಥೆಯ ಮರುಚಿಂತನೆಯ ತುರ್ತು ಅಗತ್ಯವನ್ನು ನೆನಪಿಸುತ್ತವೆ. ಪ್ರಜಾಪ್ರಭುತ್ವದ ನಿಜವಾದ ಆಶಯವಿರುವುದು ಕೇವಲ ಕಾಗದದ ಮೇಲಿನ ತಾಂತ್ರಿಕ “ಏಕರೂಪತೆ”ಯಲ್ಲಲ್ಲ, ಬದಲಿಗೆ ಭಿನ್ನ ಹಿನ್ನೆಲೆಯ ಜನರನ್ನು ಒಳಗೊಳ್ಳುವ “ಸಮಾನತೆ” ಮತ್ತು “ಸಾಮಾಜಿಕ ನ್ಯಾಯ”ದಲ್ಲಿ ಮಾತ್ರ. ಕೇವಲ ಬಂಡವಾಳಶಾಹಿ ಮಾರುಕಟ್ಟೆಯ, ಕೋಚಿಂಗ್ ಮಾಫಿಯಾಗಳ ಮತ್ತು ಪ್ರಶ್ನೆ ಪತ್ರಿಕೆ ಮಾರಾಟ ಮಾಡುವ ಕರಾಳ ಜಾಲಗಳ ಹಿತಾಸಕ್ತಿಯನ್ನು ಕಾಯುವ ಇಂತಹ ಪ್ರವೇಶ ಪರೀಕ್ಷೆಗಳು ವೈದ್ಯಕೀಯ ಕ್ಷೇತ್ರವನ್ನು ಕೇವಲ ವ್ಯಾಪಾರೀಕರಣದ ಕೇಂದ್ರವನ್ನಾಗಿ ಮಾಡುತ್ತವೆಯೇ ಹೊರತು ಮಾನವೀಯತೆಯುಳ್ಳ ವೈದ್ಯರನ್ನು ಸೃಷ್ಟಿಸಲಾರವು. ಈ ಹಿನ್ನೆಲೆಯಲ್ಲಿ, ಪ್ರಾದೇಶಿಕ ಸ್ವಾಯತ್ತತೆ, ಬಹುತ್ವ ಮತ್ತು ತಳಸಮುದಾಯಗಳ ಶೈಕ್ಷಣಿಕ ಹಕ್ಕುಗಳನ್ನು ರಕ್ಷಿಸಲು ನೀಟ್ ಮಾದರಿಯ ಕೇಂದ್ರೀಕೃತ ಪರೀಕ್ಷೆಗಳ ತಾರತಮ್ಯದ ನೆಲೆಗಳನ್ನು ತಕ್ಷಣವೇ ಮರುಪರಿಶೀಲಿಸಬೇಕಾಗಿದೆ; ಇಲ್ಲದಿದ್ದರೆ ಇದು ದೇಶದ ಒಕ್ಕೂಟ ರಚನೆ ಮತ್ತು ಸಾಮಾಜಿಕ ಸಾಮರಸ್ಯಕ್ಕೆ ತುಂಬಲಾರದ ನಷ್ಟವನ್ನು ಉಂಟುಮಾಡುವುದು ಖಂಡಿತ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಸಮರ್ಥ್ ಶಾಮನೂರು ಪ್ರಯಾಸದ ಗೆಲುವು ಮತ್ತು ಮುಂದಿನ ಸವಾಲುಗಳು
~ಗೋವರ್ಧನ ನವಿಲೇಹಾಳು
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಅವರು ಪ್ರಯಾಸದ ಗೆಲುವು ಸಾಧಿಸಿದ್ದಾರೆ. ಶಾಮನೂರು ಶಿವಶಂಕರಪ್ಪ ಅವರ ನಿಧನದ ನಂತರ ಖಾಲಿಯಾದ ಈ ಕ್ಷೇತ್ರವು ಕುಟುಂಬದ ರಾಜಕೀಯ ಉತ್ತರಾಧಿಕಾರ, ಅಲ್ಪಸಂಖ್ಯಾತರ ಅಸಮಾಧಾನ ಮತ್ತು ಪಕ್ಷಾಂತರದ ಆರೋಪಗಳ ನಡುವೆ ತೀವ್ರ ಸ್ಪರ್ಧೆಯನ್ನು ಕಂಡಿತು. ಸುಮಾರು 5,708 ಮತಗಳ ಅಂತರದಿಂದ ಗೆದ್ದ ಸಮರ್ಥ್ ಅವರು ಶಾಮನೂರು ಕುಟುಂಬದ ಮೂರನೇ ಪೀಳಿಗೆಯ ಪ್ರತಿನಿಧಿಯಾಗಿ ವಿಧಾನಸಭೆಗೆ ಪ್ರವೇಶಿಸಿದ್ದಾರೆ. ಈ ಗೆಲುವು ಕಾಂಗ್ರೆಸ್ಗೆ ಸಂತೋಷದ ಸುದ್ದಿಯಾದರೂ, ಎಸ್ಡಿಪಿಐ ಪಡೆದ ಗಣನೀಯ 18,975 ಮತಗಳು ಮತ್ತು ಬಿಜೆಪಿಯ ತೀವ್ರ ಪೈಪೋಟಿ ರಾಜಕೀಯ ಸಮೀಕರಣಗಳಲ್ಲಿ ಹೊಸ ತಿರುವುಗಳನ್ನು ಸೂಚಿಸುತ್ತವೆ.
ಈ ಉಪಚುನಾವಣೆಯು ಕೇವಲ ಕ್ಷೇತ್ರೀಯ ಘಟನೆಯಾಗಿರದೆ, ಕರ್ನಾಟಕ ರಾಜಕೀಯದಲ್ಲಿ ಅಲ್ಪಸಂಖ್ಯಾತರ ಮತಬ್ಯಾಂಕ್, ಕುಟುಂಬ ರಾಜಕೀಯ ಮತ್ತು ಪ್ರತಿಪಕ್ಷದ ತಂತ್ರಗಳ ಬಗ್ಗೆ ದೊಡ್ಡ ಚರ್ಚೆಗೆ ಕಾರಣವಾಯಿತು. ಶಾಮನೂರು ಕುಟುಂಬದ ದೀರ್ಘಕಾಲದ ಸೇವೆಯನ್ನು ಜನರು ಮೆಚ್ಚಿದ್ದರೂ, ಕಾಂಗ್ರೆಸ್ನಲ್ಲಿ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನಿರಾಕರಣೆಯಿಂದಾಗಿ ಉಂಟಾದ ಅಸಮಾಧಾನವು ಎಸ್ಡಿಪಿಐಗೆ ಅವಕಾಶ ಮಾಡಿಕೊಟ್ಟಿತು. ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ ಅವರು ತೀವ್ರ ಪ್ರಚಾರ ನಡೆಸಿದ್ದರೂ, ಕಾಂಗ್ರೆಸ್ನ ಅಭಿವೃದ್ಧಿ ಕಾರ್ಯಗಳು ಮತ್ತು ಐದು ಗ್ಯಾರಂಟಿಗಳ ಪ್ರಭಾವವು ಗೆಲುವಿಗೆ ನೆರವಾಯಿತು. ಆದರೆ ಈ ಗೆಲುವು ಸುಲಭವಾಗಿರಲಿಲ್ಲ; ಅದು ಎಲ್ಲಾ ಪಕ್ಷಗಳಿಗೂ ಪಾಠವನ್ನು ಕಲಿಸುತ್ತದೆ.
ಸಮರ್ಥ್ ಶಾಮನೂರು ಅವರ ಮುಂದಿನ ನಡೆ
ಕಿರಿಯ ವಯಸ್ಸಿನಲ್ಲಿ (ದೇಶದ ಎರಡನೇ ಅತಿ ಕಿರಿಯ ಶಾಸಕರಾಗಿ) ಗೆದ್ದ ಸಮರ್ಥ್ ಅವರು ತಮ್ಮ ಅಜ್ಜರ ರಾಜಕೀಯ ಪರಂಪರೆಯನ್ನು ಮುಂದುವರಿಸುವ ಜವಾಬ್ದಾರಿಯಲ್ಲಿದ್ದಾರೆ. ಮುಂದಿನ ನಡೆಯು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಕೇಂದ್ರೀಕರಣಗೊಳ್ಳಬೇಕು. ದಾವಣಗೆರೆಯಂತಹ ನಗರ-ಗ್ರಾಮೀಣ ಮಿಶ್ರ ಕ್ಷೇತ್ರದಲ್ಲಿ ನೀರಾವರಿ, ಉದ್ಯೋಗ, ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳನ್ನು ಬಲಪಡಿಸುವುದು ಮುಖ್ಯ. ಶಾಮನೂರು ಕುಟುಂಬದ ಹೆಸರು ಅಭಿವೃದ್ಧಿಗೆ ಸಮಾನವಾಗಿದೆ; ಇದನ್ನು ಮುಂದುವರಿಸಿ, ಎಲ್ಲಾ ಸಮುದಾಯಗಳ ನಡುವೆ ಸೇತುವೆಯಾಗಬೇಕು.
ವಿಶೇಷವಾಗಿ ಅಲ್ಪಸಂಖ್ಯಾತರ ಅಸಮಾಧಾನವನ್ನು ನಿವಾರಿಸುವುದು ಅಗತ್ಯ. ಟಿಕೆಟ್ ವಿವಾದದ ನಂತರ ಉಂಟಾದ ಬಿರುಕುಗಳನ್ನು ತುಂಬುವ ಮೂಲಕ ಏಕತೆಯ ಸಂದೇಶ ನೀಡಬೇಕು. ಯುವಕರಾಗಿರುವುದರಿಂದ ಆಧುನಿಕ ತಂತ್ರಜ್ಞಾನ, ಉದ್ಯಮಶೀಲತೆ ಮತ್ತು ಪಾರದರ್ಶಕ ಆಡಳಿತದ ಮೂಲಕ ಹೊಸ ಚಿಂತನೆ ತರಬಹುದು. ರಾಜಕೀಯದಲ್ಲಿ ವೈಯಕ್ತಿಕ ದಾಳಿ ಬದಲು ನಿರ್ಮಾಣಾತ್ಮಕ ವಿಮರ್ಶೆಯನ್ನು ಪ್ರೋತ್ಸಾಹಿಸುವುದು ಅವರ ಯಶಸ್ಸಿಗೆ ಕಾರಣವಾಗುತ್ತದೆ. ಜನಸಂಪರ್ಕವನ್ನು ನಿರಂತರವಾಗಿ ಉಳಿಸಿಕೊಂಡು, ಕ್ಷೇತ್ರದ ಸಮಸ್ಯೆಗಳನ್ನು ವಿಧಾನಸಭೆಯಲ್ಲಿ ಪ್ರಸ್ತುತಪಡಿಸುವುದು ಅವರ ಮುಂದಿನ ಗುರಿಯಾಗಬೇಕು. ಗೆಲುವು ಕುಟುಂಬದ ಆಸ್ತಿಯಲ್ಲ, ಜನರ ವಿಶ್ವಾಸದ ಫಲ; ಇದನ್ನು ಕಾಯ್ದುಕೊಳ್ಳುವುದು ದೊಡ್ಡ ಸವಾಲು.
ಬಿಜೆಪಿಯ ಮುಂದಿನ ಸವಾಲುಗಳು
ಬಿಜೆಪಿ ಈ ಚುನಾವಣೆಯಲ್ಲಿ ತೀವ್ರ ಪೈಪೋಟಿ ನೀಡಿದ್ದರೂ ಗೆಲುವು ಸಾಧಿಸಲು ಸಾಧ್ಯವಾಗಲಿಲ್ಲ. ಕಾಂಗ್ರೆಸ್ನ ಒಳಜಗಳಗಳನ್ನು ಬಳಸಿಕೊಳ್ಳುವ ಅವಕಾಶವನ್ನು ಪೂರ್ಣವಾಗಿ ಬಳಸಿಕೊಳ್ಳಲು ವಿಫಲವಾಯಿತು ಎಂಬ ಮಾತುಗಳು ಕೇಳಿಬರುತ್ತಿವೆ. ಮುಂದೆ ಬಿಜೆಪಿಗೆ ಸವಾಲುಗಳು ಹಲವು: ಮೊದಲನೆಯದು, ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತರ ನಡುವೆ ವಿಶ್ವಾಸಾರ್ಹತೆಯನ್ನು ಕಟ್ಟುವುದು. ಧ್ರುವೀಕರಣದ ತಂತ್ರಗಳು ಸೀಮಿತ ಯಶಸ್ಸು ನೀಡುತ್ತವೆ ಎಂಬುದು ಈ ಫಲಿತಾಂಶ ಸೂಚಿಸುತ್ತದೆ.
ಕ್ಷೇತ್ರದಲ್ಲಿ ಸ್ಥಳೀಯ ನಾಯಕರನ್ನು ಬಲಪಡಿಸುವುದು, ಅಭಿವೃದ್ಧಿ ಕಾರ್ಯಕ್ರಮಗಳ ಮೂಲಕ ಜನಸಂಪರ್ಕ ಹೆಚ್ಚಿಸುವುದು ಅಗತ್ಯ. ರಾಜ್ಯ ಮಟ್ಟದಲ್ಲಿ ಪ್ರತಿಪಕ್ಷದ ಪಾತ್ರವನ್ನು ಪರಿಣಾಮಕಾರಿಯಾಗಿ ನಿರ್ವಹಿಸುತ್ತಾ, ಸರ್ಕಾರದ ವೈಫಲ್ಯಗಳನ್ನು ಎತ್ತಿ ತೋರಿಸುವುದು ಮುಂದಿನ ಚುನಾವಣೆಗಳಲ್ಲಿ ನೆರವಾಗುತ್ತದೆ. ಈ ಗೆಲುವು ಕಾಂಗ್ರೆಸ್ಗೆ ಎಚ್ಚರಿಕೆಯಾಗಿದ್ದರೆ, ಬಿಜೆಪಿಗೆ ಕ್ರಿಯಾಶೀಲತೆಯ ಅಗತ್ಯವನ್ನು ತೋರಿಸುತ್ತದೆ.
ಎಸ್ಡಿಪಿಐ ಮುಂದಿನ ಸವಾಲು
ಎಸ್ಡಿಪಿಐ ಈ ಚುನಾವಣೆಯಲ್ಲಿ ಗಮನಾರ್ಹ ಮತಗಳನ್ನು ಪಡೆದು ತನ್ನ ಉಪಸ್ಥಿತಿಯನ್ನು ಸಾಬೀತುಪಡಿಸಿದೆ. ಅಲ್ಪಸಂಖ್ಯಾತರ, ವಿಶೇಷವಾಗಿ ಮುಸ್ಲಿಂ ಸಮುದಾಯದ ಅಸಮಾಧಾನವನ್ನು ಬಳಸಿಕೊಂಡು ತನ್ನ ಮತಬ್ಯಾಂಕ್ನ್ನು ವಿಸ್ತರಿಸಿದೆ. ಆದರೆ ಇದು ಸವಾಲುಗಳನ್ನೂ ತಂದಿದೆ. ಮುಂದೆ ಎಸ್ಡಿಪಿಐಗೆ ಬ್ರಾಡ್ ಆಪೀಲ್ ಅಗತ್ಯ – ಕೇವಲ ಒಂದು ಸಮುದಾಯಕ್ಕೆ ಸೀಮಿತವಾಗದೆ, ಆರ್ಥಿಕ-ಸಾಮಾಜಿಕ ನ್ಯಾಯ, ಶಿಕ್ಷಣ ಮತ್ತು ಉದ್ಯೋಗದಂತಹ ವಿಷಯಗಳಲ್ಲಿ ಎಲ್ಲರಿಗೂ ಸ್ಪಂದಿಸುವ ಧೋರಣೆ ಬೆಳೆಸಬೇಕು.
ಚುನಾವಣಾ ಅನಿಯಮಗಳ ಆರೋಪಗಳು ಮತ್ತು ಮುಖ್ಯ ಪಕ್ಷಗಳ ನಡುವಿನ ತಂತ್ರಗಳ ನಡುವೆ ಸಿಲುಕದೆ, ಸ್ವತಂತ್ರ ರಾಜಕೀಯವನ್ನು ಬಲಪಡಿಸುವುದು ಮುಖ್ಯ. ದೀರ್ಘಕಾಲದ ಯಶಸ್ಸಿಗೆ ಸಮುದಾಯಗಳ ನಡುವಿನ ಸೇತುವೆಯಾಗುವುದು ಅಗತ್ಯ; ಇಲ್ಲದಿದ್ದರೆ ಮತ ವಿಭಜನೆಯ ಆರೋಪಗಳು ಮುಂದುವರಿಯುತ್ತವೆ.
ಈ ಫಲಿತಾಂಶವು ಭಾರತೀಯ ಜನತಂತ್ರದ ಜೀವಂತತೆಯನ್ನು ತೋರಿಸುತ್ತದೆ. ಗೆಲುವು ಸಂಭ್ರಮಿಸುವುದರ ಜೊತೆಗೆ, ಸೋಲಿನಿಂದ ಪಾಠ ಕಲಿಯುವುದು ಎಲ್ಲಾ ಪಕ್ಷಗಳ ಕರ್ತವ್ಯ. ಸಮರ್ಥ್ ಶಾಮನೂರು ಅವರು ತಮ್ಮ ಯುವಕರ ಉತ್ಸಾಹ ಮತ್ತು ಕುಟುಂಬ ಪರಂಪರೆಯನ್ನು ಸಂಯೋಜಿಸಿ, ಎಲ್ಲಾ ವರ್ಗಗಳ ಜನರ ಸೇವೆಗೆ ಮುಂದಾಗಬೇಕು. ಕಾಂಗ್ರೆಸ್ ಅಂತರ್ಗತ ಏಕತೆಯನ್ನು ಬಲಪಡಿಸಬೇಕು. ಬಿಜೆಪಿ ಮತ್ತು ಎಸ್ಡಿಪಿಐ ತಮ್ಮ ತಂತ್ರಗಳನ್ನು ಪುನರ್ ಪರಿಶೀಲಿಸಿ, ಜನಕೇಂದ್ರಿತ ರಾಜಕೀಯಕ್ಕೆ ಮರಳಬೇಕು.
ದಾವಣಗೆರೆ ದಕ್ಷಿಣದ ಜನರು ಅಭಿವೃದ್ಧಿ ಮತ್ತು ಸಾಮರಸ್ಯವನ್ನು ಬಯಸುತ್ತಾರೆ. ಹೊಸ ಶಾಸಕರು ಈ ನಿರೀಕ್ಷೆಯನ್ನು ಪೂರೈಸುವಲ್ಲಿ ಯಶಸ್ವಿಯಾಗಲಿ ಎಂದು ಹಾರೈಸುತ್ತೇವೆ. ರಾಜಕೀಯವು ಸೇವೆಯಾಗಬೇಕೇ ವಿನಾ ಕುಟುಂಬ ಅಥವಾ ಸಮುದಾಯ ದ್ವೇಷದ ಆಟವಾಗಬಾರದು. ಈ ಉಪಚುನಾವಣೆಯ ಪಾಠಗಳು ರಾಜ್ಯದ ಭವಿಷ್ಯದ ಚುನಾವಣೆಗಳಿಗೆ ದಾರಿ ತೋರಿಸುತ್ತವೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243


