ಅಂತರಂಗ
ಅರಿಮೆಯ ಅರಿವಿರಲಿ – 17 : ತ್ಯಾಗವೇ ನನ್ನುಸಿರು
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
https://suddidina.com/wp-content/uploads/2020/04/Art_suddidina_article-1.jpg&description=ಅರಿಮೆಯ ಅರಿವಿರಲಿ – 17 : ತ್ಯಾಗವೇ ನನ್ನುಸಿರು', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
https://suddidina.com/wp-content/uploads/2020/04/Art_suddidina_article-1.jpg&description=ಅರಿಮೆಯ ಅರಿವಿರಲಿ – 17 : ತ್ಯಾಗವೇ ನನ್ನುಸಿರು', 'pinterestShare', 'width=750,height=350'); return false;" title="Pin This Post">
- ಯೋಗೇಶ್ ಮಾಸ್ಟರ್
ತಾನು ನೋವಿಗೊಳಗಾಗುತ್ತಾ ಇತರರ ಅನುಕಂಪ ಮತ್ತು ಗಮನವನ್ನು ತನ್ನ ಕಡೆಗೆ ಸೆಳೆದುಕೊಳ್ಳುವುದೇ ಮಾರ್ಟಿರ್ ಕಾಂಪ್ಲೆಕ್ಸ್. ಬಲಿದಾನದರಿಮೆಯುಳ್ಳವರ ಧ್ಯೇಯವಾಕ್ಯ “ಪರೋಪಕಾರಾರ್ಥೇಮಿದಂ ಶರೀರಂ.”ಅತಿಯೆನಿಸುವಷ್ಟು ಅಧಿಕ ಪರೋಪಕಾರಿಗಳು.ಕೆಲವೊಮ್ಮೆ ಅದು ನೋಡುಗರಿಗೆ ಮತ್ತು ಸಹವಾಸಿಗಳಿಗೆ ಉಪಕಾರವೆನಿಸುವುದೂ ಇಲ್ಲ. ತಮ್ಮನ್ನು ತಾವು ದಂಡಿಸಿಕೊಂಡು ಮತ್ತೊಬ್ಬರಿಗೆ ಕೆಲಸ ಮಾಡುವುದನ್ನು ನೋಡಿದರೆ ಕಿರಿಕಿರಿಯಾಗುತ್ತದೆ.
ಕೆಲವೊಂದು ಮನೆಗಳಲ್ಲಿ ಹೆಂಗಸರು ತಾನು ಏನೂ ತಿನ್ನದೇ, ಕುಡಿಯದೇ ಬರಿದೇ ಕೆಲಸ ಮಾಡುತ್ತಿರುತ್ತಾರೆ. ಎಲ್ಲರಿಗೂ ಅಡುಗೆ ಮಾಡಿ ಬಡಿಸುತ್ತಾರೆ, ಪಾತ್ರೆ ತೊಳೆಯುತ್ತಾರೆ, ಬಟ್ಟೆ ಒಗೆಯುತ್ತಾರೆ. ಆದರೆ ತಮ್ಮ ಹೊಟ್ಟೆಗೇನೂ ಹಾಕಿಕೊಳ್ಳುವುದಿಲ್ಲ. ಗಮನಿಸಿದವರು ತಿನ್ನು ತಿನ್ನು ಎಂದರೂ ಇದೊಂದು ಕೆಲಸ ಮುಗಿದುಹೋಗಲಿ, ಆಮೇಲೆ ತಿನ್ನುತ್ತೇನೆ ಎನ್ನುವರು. ಹಸಿದುಕೊಂಡೇ ಎಷ್ಟು ಹೊತ್ತಾದರೂ ಕೆಲಸ ಮಾಡುತ್ತಿರುವರು. ಅವರ ಆಂತರ್ಯಕ್ಕೆ ಬೇಕಾಗಿರುವುದೇ ಅದು. ನೋಡುಗರು “ನೋಡು ಅವಳನ್ನು. ಏನೂ ತಿನ್ನದೇ, ಬರೀ ಹೊಟ್ಟೆಯಲ್ಲಿ ಕೆಲಸ ಮಾಡುತ್ತಿದ್ದಾಳೆ. ತನ್ನ ಹೊಟ್ಟೆಗೇನೂ ಹಾಕಿಕೊಳ್ಳದಿದ್ದರೂ ಇತರರ ಹೊಟ್ಟೆ ತುಂಬಿಸುತ್ತಾಳೆ. ಯಾವಾಗಲೂ ಅವಳಿಗೆ ಗಂಡ, ಮಕ್ಕಳು, ಇತರರದೇ ಯೋಚನೆ. ತನ್ನ ಸ್ವಂತದ್ದೇನನ್ನೂ ಲಕ್ಷಿಸುವುದಿಲ್ಲ.” ಈ ತ್ಯಾಗಮಯಿಯ ಹಣೆಪಟ್ಟಿ ಬೇಕವರಿಗೆ. ಜ್ವರ ಬಂದಿದ್ದರೂ ಎದ್ದು ಕೆಲಸ ಮಾಡುವುದು. ಔಷಧ ತೆಗೆದುಕೊಳ್ಳುವುದನ್ನೂ ಬಿಟ್ಟು ಕೆಲಸ ಮಾಡಲು ಬರುವುದು.
ಇತರರಿಗಾಗಿ ರಾತ್ರಿ ನಿದ್ದೆಗೆಟ್ಟು ದುಡಿಯುವುದು. ಎಲ್ಲಾ ಕೆಲಸಗಳನ್ನೂ ತಾನೇ ಮೈಮೇಲೆಳೆದುಕೊಳ್ಳುವುದು. ಇಂತವೆಲ್ಲಾ ಮಾರ್ಟಿರ್ ಕಾಂಪ್ಲೆಕ್ಸ್ ಅಥವಾ ಬಲಿದಾನದರಿಮೆಯ ಅಥವಾ ಹುತಾತ್ಮನರಿಮೆಯ ಲಕ್ಷಣಗಳು. ಇತರರು ಮೊದಲು ತಾನು ನಂತರ – ಇದು ಅವರ ಆದ್ಯತೆ. ಅದಕ್ಕಾಗಿ ಅವರು ತಮ್ಮ ಆರೋಗ್ಯ ಮತ್ತು ಸುಖವನ್ನೆಲ್ಲಾ ಬೇಕಾದರೆ ತ್ಯಾಗ ಮಾಡುತ್ತಾರೆ ಅಥವಾ ನಿರ್ಲಕ್ಷಿಸುತ್ತಾರೆ. ಈ ತ್ಯಾಗದ ಹಿಂದೆ ಇರುವುದು ಅವರ ಅರಿಮೆಯ ಆಳದಲ್ಲಿ ಇತರರ ಗಮನ ಸೆಳೆಯುವ ಬಯಕೆ ಮತ್ತು ಅವರ ಕಾಳಜಿಯ ಕೋರಿಕೆ.
ತಾವು ಬಯಸುವಂತಹ ಅಥವಾ ಅಂತರಾಳದ ಆಸೆಯಿಂದ ನಿರೀಕ್ಷಿಸುತ್ತಿರುವಂತಹ ಪ್ರಶಂಸೆ, ಗಮನ ಮತ್ತು ಕಾಳಜಿಗಳು ಅತ್ತ ಕಡೆಯಿಂದ ಬರದೇ ಹೋದರೆ ತಮ್ಮನ್ನು ಇನ್ನಷ್ಟು ಕಠಿಣ ಪರಿಶ್ರಮಗಳಿಗೆ ಒಳಪಡಿಸಿಕೊಳ್ಳುತ್ತಾರೆ. ಹಾನಿ ಮಾಡಿಕೊಳ್ಳುವುದು, ಘಾಸಿ ಮಾಡಿಕೊಳ್ಳುವುದು ಕೂಡಾ ಉಂಟು.ಎಲ್ಲಿಂದಲೋ ಬಿದ್ದುಬಿಡುವುದು, ಕೈ ಕುಯ್ದುಕೊಳ್ಳುವುದು. ಇವುಗಳ ಜೊತೆಗೆ ಖಿನ್ನತೆಗೂ ಜಾರುತ್ತಾರೆ. ಇದು ಅವರ ಉಗ್ರವಾದ ವರ್ತನೆಗಳಿಗೂ ದಾರಿಯಾಗುತ್ತದೆ.
ದೇಶಕ್ಕಾಗಿ ಪ್ರಾಣ ಕೊಡುತ್ತೇನೆ
ಆರನೆಯ ತರಗತಿಯೊಂದರಲ್ಲಿ ಮಕ್ಕಳೆಲ್ಲಾ ತಾವು ದೊಡ್ದವರಾದ ಮೇಲೆ ಏನಾಗಬೇಕೆಂದು ಬಯಸುತ್ತೇವೆ ಎಂದು ಹೇಳುತ್ತಿದ್ದರು. ಒಬ್ಬ ಹುಡುಗ ತಾನು ಮಿಲಿಟರಿ ಸೇರಬೇಕು ಎಂದ.
“ಮಿಲಿಟರಿ ಏಕೆ?”
“ಸೋಲ್ಜರ್ ಆಗುತ್ತೇನೆ.”
“ಸೋಲ್ಜರ್ ಆಗಿ ಏನು ಮಾಡುತ್ತೀಯಾ?”
“ದೇಶವನ್ನು ರಕ್ಷಿಸುತ್ತೇನೆ. ಶತ್ರುಗಳೊಂದಿಗೆ ಹೋರಾಡುತ್ತೇನೆ.”
“ಆಮೇಲೆ?”
“ಆಮೇಲೆ?” ಅವನಿಗೆ ಮುಂದೆ ಏನು ಹೇಳುವುದು ಎಂದು ತೋಚಲಿಲ್ಲ. ಆದರೂ ಹೇಳಿದ “ದೇಶಕ್ಕಾಗಿ ಪ್ರಾಣಬಿಡುತ್ತೇನೆ.”
“ಆಮೇಲೆ?”
“ಆಮೇಲೆ. ದೇಶಕ್ಕೆಲ್ಲಾ ಒಳ್ಳೆಯದಾಗತ್ತೆ. ಆಮೇಲೆ,” ಅವನು ಆಲೋಚಿಸಲು ಕಷ್ಟಪಡುತ್ತಿದ್ದ, “ಆಮೇಲೆ, ನನ್ನ ಹೆಸರು ಎಲ್ಲಾ ಹೇಳ್ತಾರೆ….”
“ನಿನಗೆ ಗೊತ್ತಿರುವ ಒಂದೆರಡು ಸೋಲ್ಜರ್ಸ್ ಹೆಸರು ಹೇಳು.”
ಅವನು ಒಂದೂ ಹೇಳಲಿಲ್ಲ.
ಆದರೆ ಅವನಲ್ಲಿ ಸೈನಿಕನಾಗಿ ಸಾಯುವುದೆಂದರೆ ಬಹಳ ಹೀರೋಯಿಕ್ ಆಗಿರುವ ಕಲ್ಪನೆಯಷ್ಟೇ ಇತ್ತು. ಅವನ ತಂದೆ ಅಕೌಂಟೆಂಟ್. ಅವರ ಮನೆಯಲ್ಲಿ ಯಾರೂ ಯಾವ ವಿಶೇಷ ಪ್ರತಿಭೆಯುಳ್ಳವರೂ, ಅಥವಾ ಹೆಸರುವಾಸಿಯಾದವರೂ ಇರಲಿಲ್ಲ. ಇವನೊಳಗೆ ಸಹಜವಾಗಿ ಇರುವಂತ ಆತ್ಮರತಿಗೆ ಏನಾದರೊಂದು ಪ್ರದರ್ಶನಕ್ಕೆ ವೇದಿಕೆ ಬೇಕಿತ್ತು. ಅವನು ತಾನೊಬ್ಬ ವೀರ ಸಿಪಾಯಿಯಾಗುವುದರಿಂದ ಪ್ರಖ್ಯಾತನಾಗಬಹುದು ಅಥವಾ ತಾನು ಕಂಡುಕೊಂಡಿರುವ ಆ ಹೀರೋಯಿಕ್ ಚಿತ್ರಣ ತನ್ನದಾಗಬಹುದೆಂಬ ಆಲೋಚನೆಯೋ ಏನೋ? ಆ ಬಾಲಕ ಇವತ್ತು ಸಾಫ್ಟ್ವೇರ್ ಇಂಜಿನಿಯರ್ ಆಗಿದ್ದಾನೆ. ಹೆಂಡತಿ ಮಕ್ಕಳ ಜೊತೆ ಸುಖವಾಗಿದ್ದಾನೆ. ಅವನು ಸೈನಿಕನಾಗಲಿಲ್ಲ.
ಇತ್ತೀಚೆಗೆ ದೇಶದ ಮೇಲೆ ದಾಳಿ ಮಾಡುವ ಶತ್ರುಗಳ ಮತ್ತು ದೇಶಕ್ಕಾಗಿ ಹೋರಾಡುವ ವೀರ ಸೈನಿಕರ ವಿಷಯಗಳು ಬಂದಾಗ, “ಹೊರಗಿನ ಶತ್ರುಗಳಿಗಿಂತ ಒಳಗಿನ ಶತ್ರುಗಳೇ ಅಪಾಯಕಾರಿ. ನಮ್ಮೊಳಗಿನ ಶತ್ರುಗಳು ಅವರು ಮಿತ್ರರಾಗಬಹುದಾದ ಅವಕಾಶವನ್ನು ಇಲ್ಲವಾಗಿಸಿ ಅವರನ್ನು ಶತ್ರುಗಳನ್ನಾಗಿಯೇ ಉಳಿಸಿ, ಅವರೊಂದಿಗೆ ಹೋರಾಡಲು ಇತರರನ್ನು ಹುರಿದುಂಬಿಸಿ ಬ್ಲಡ್ ಸ್ಪೋರ್ಟ್ ಆಡುತ್ತಿದ್ದಾರೆ. ಭಾವೋದ್ರಿಕ್ತರಾಗಿ ವಿಚಾರ ಮಾಡದೇ ಮುನ್ನುಗ್ಗುವವರೇ ಅವರಿಗೆ ಬೇಕಾಗಿರುವುದು, ಎಚ್ಚರ” ಎಂದು ಫೇಸ್ಬುಕ್ಕಿನ ತನ್ನ ಗೋಡೆಯ ಮೇಲೆ ಬರೆದುಕೊಂಡಿದ್ದ.
ಆಲೋಚನೆಗಳು ಅಸೀಮವಾಗಲಿ
ಇಷ್ಟನ್ನು ಆಲೋಚನೆ ಮಾಡೋಣ.ಅರಿಮೆಗಳಿಗೆ ಒಂದು ನಿರ್ಧರಿತ ಚೌಕಟ್ಟುಗಳಿರುತ್ತವೆ. ಅದನ್ನು ದಾಟಲು ಅಥವಾ ಮೀರಲು ನಾವು ಸಹಕರಿಸಬೇಕೆಂದರೆ ಅವರ ಆಲೋಚನೆಗಳಿಗೆ ಉತ್ತರಗಳನ್ನೋ ಅಥವಾ ಪ್ರತ್ಯಾಲೋಚನೆಗಳನ್ನು ಕೊಡಬಾರದು. ಅವರದೇ ಆಲೋಚನೆಗಳನ್ನು ವಿಸ್ತರಿಸಿಕೊಳ್ಳಲು, ತಾವು ವಿಚಾರ ಮಾಡಿರುವಷ್ಟರ, ಚಿತ್ರಿಸಿಕೊಂಡಿರುವಷ್ಟರ ಆಚೆಗೆ ಆಲೋಚನೆಗಳನ್ನು ಮಾಡಲು ಅವಕಾಶ ಮಾಡಿಕೊಡಬೇಕು. ಅರಿಮೆಗಳು ಗಟ್ಟಿಯಾಗುವುದು, ಅವರ ಸೀಮಿತ ಚೌಕಟ್ಟುಗಳ ಒಳಗಿನ ವಿಚಾರಗಳಿಗೆ ಸತತವಾಗಿ ಸ್ಪಂದಿಸುತ್ತಿದ್ದಾಗ. ಸಕಾರಾತ್ಮಕವಾಗಿಯಾದರೂ ಸ್ಪಂದಿಸಿ, ನಕಾರಾತ್ಮಕವಾಗಿಯಾದರೂ ಸ್ಪಂದಿಸಿ, ಅದು ಗಟ್ಟಿಯಾಗುತ್ತದೆ.
ನೀವು ಈಗಾಗಲೇ ತಲೆಯಲ್ಲಿ ಕೂತಿರುವ ಆ ವ್ಯಕ್ತಿಯ ವಿಚಾರಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಸಹಜವಾಗಿ ಅದು ಪ್ರೋತ್ಸಾಹವನ್ನು ಪಡೆದು ಮತ್ತಷ್ಟು ಗಟ್ಟಿಯಾಗುತ್ತದೆ. ನೀವು ನಕಾರಾತ್ಮಕವಾಗಿ ಸ್ಪಂದಿಸಿದಿರೋ, ಆ ವಿಚಾರಕ್ಕೆ ವಿರುದ್ಧವಾಗಿ ನೀವು ಇದ್ದೀರಿ ಎಂದು ತಮ್ಮ ವಿಚಾರವನ್ನು ಮತ್ತಷ್ಟು ಗಟ್ಟಿಯಾಗಿ ಅವುಚಿಕೊಂಡು ಹಿಡಿಯುತ್ತಾರೆ. ಅದು ತಮ್ಮನ್ನು ಬಿಟ್ಟುಹೋಗದಂತೆ, ಅಥವಾ ತಾವು ಅದನ್ನು ಬಿಡದಂತೆ ಹಟದಿಂದ ಗಟ್ಟಿ ಹಿಡಿಯುತ್ತಾರೆ. ಇದು ಸಾಮಾನ್ಯವಾಗಿ ಯಾವುದೇ ಅರಿಮೆಯ ಲಕ್ಷಣ. ಹಾಗಾಗಿ ಅರಿಮೆಯುಳ್ಳ ವ್ಯಕ್ತಿಗಳಿಗೆ ತಮ್ಮಲ್ಲಿರುವ ಯಾವುದೇ ವಿಚಾರವನ್ನು ವಿಸ್ತರಿಸಲು, ಹಿಗ್ಗಿಸಲು, ಕ್ಷಿತಿಜಗಳನ್ನು ವಿಸ್ತರಿಸಿಕೊಳ್ಳಲು, ಸೀಮೆಗಳನ್ನು ದಾಟಿ ನೋಡಲು ಅನುಕೂಲವಾಗುವಂತಹ ಅವಕಾಶಗಳನ್ನು ಒದಗಿಸಿಕೊಡಬೇಕು. ಹೇಗೆ ಅರಿಮೆಯು ತನ್ನ ತೀರಾ ಖಾಸಗಿ ಮನಸ್ಸಿನ ಭಾಗವೋ, ಹಾಗೆಯೇ ಅರಿವೂ ಕೂಡಾ ತನ್ನದೇ ಮನಸ್ಸಿನ ಆಲೋಚನೆಗಳ ವಿಸ್ತರಣೆಯಿಂದ ಲಭಿಸಿದರೆ ಆತ್ಮತೃಪ್ತಿ. ತಾನು ಯಾರದೋ ಮಾತನ್ನು ಕೇಳುತ್ತಿದ್ದೇನೆ. ಯಾರಿಗೋ ವಿಧೇಯಕನಾಗಿದ್ದೇನೆ ಎಂಬ ಕೀಳರಿಮೆಯಿರದು. ಹಾಗಾಗಿಯೇ ವಿಚಾರಗಳನ್ನಾಗಲಿ, ಆಲೋಚನೆಗಳನ್ನಾಗಲಿ ಕೊಡಬಾರದು. ಬದಲಿಗೆ ವಿಚಾರ ಮಾಡುವ ಹಾಗೆ, ಆಲೋಚನೆ ಮಾಡುವ ಹಾಗೆ ಪ್ರೇರೇಪಿಸಬೇಕು.
ಆತ್ಮರತಿಯ ಅತ್ಯುನ್ನತ ಸ್ಥಿತಿ
ರೋಮಾಂಚನಗೊಳಿಸುವಂತಹ ಹಿನ್ನೆಲೆಯ ಸಂಗೀತ, ಪರವಶಗೊಳಿಸುವ ಬೆಳಕು, ಉತ್ತಮ ಮತ್ತು ಆಕರ್ಷಕವಾದ ಚಿತ್ರೀಕರಣ, ಪರಿಣಾಮಕಾರಿಯಾದ ಅಭಿನಯ; ಇವುಗಳೆಲ್ಲಾ ಇರುವ ನೇಣಿಗೇರುವ ಅಥವಾ ಹೋರಾಡಿ ಮಡಿಯುವ ವೀರನ ಕಥೆಯನ್ನು ಸಿನಿಮಾ ಮಂದಿರದಲ್ಲಿ ನೋಡುವ ಮಂದಿಗೆ ಈ ಬಲಿದಾನದರಿಮೆಯು ಮತ್ತಷ್ಟು ಬಲಿಯುತ್ತದೆ. ಹಿಂದೆ ಬರಹಗಳು ಈ ಬಗೆಯ ಬಲಿದಾನಗಳಿಗೆ ಪ್ರೇರೇಪಿಸುತ್ತಿದ್ದವು.
ಬಲಿದಾನದರಿಮೆ ಒಂದು ಮನೋವ್ಯಾಧಿ. ನಾನುಹುತಾತ್ಮನಾಗಬೇಕು.ಮಹಾತ್ಮನಾಗಬೇಕು.ನಾನು ಮನೆ, ಮಠ, ಮಡದಿ, ಮಕ್ಕಳು, ಕೊನೆಗೆ ಜೀವ ಎಲ್ಲವನ್ನೂ ತ್ಯಾಗ ಮಾಡಬೇಕು ಎಂದು ದೃಢ ಸಂಕಲ್ಪವನ್ನು ಮಾಡಿ ಬಲಿಯಾಗುವುದು ಆತ್ಮರತಿಯ ಅತ್ಯುನ್ನತ ಸ್ಥಿತಿಯೇ ಹೊರತು ಮತ್ತೇನಿಲ್ಲ.
ಹಾಗಾದರೆ ತ್ಯಾಗ, ಬಲಿದಾನಗಳಿಗೆ ಬೆಲೆಯೇ ಇಲ್ಲವೇ? ಇವೂ ಕೂಡಾ ಮಾನಸಿಕ ಸಮಸ್ಯೆಗಳೇ ಎಂಬ ಆಲೋಚನೆ ಬಂದರೆ ಎಷ್ಟೆಷ್ಟೋ ಆಧ್ಯಾತ್ಮಿಕ ವ್ಯಕ್ತಿಗಳ ತ್ಯಾಗಗಳು, ದೇಶಭಕ್ತರ ತ್ಯಾಗಗಳೆಲ್ಲವನ್ನೂ ಈ ಮಾನದಂಡದಲ್ಲಿ ನೋಡಲಾರಂಭಿಸಿದರೆ ಗೊಂದಲವುಂಟಾಗುತ್ತದೆ. ಆದರೆ, ನಿಧಾನವಾಗಿ ಬಿಡಿಸಿ ನೋಡಿದರೆ ಅರ್ಥವಾಗುವುದು. ಸ್ವಾತಂತ್ರ್ಯ ಸಂಗ್ರಾಮದಂತಹ ಹೋರಾಟಗಳಲ್ಲಿ ಅವರಿಗೊಂದು ಸ್ಪಷ್ಟವಾದ ಗುರಿಯಿದ್ದು, ಆ ಗುರಿಸಾಧನೆಗೆ ಶ್ರಮ ಪಡುತ್ತಿರುತ್ತಾರೆ. ಆಗ ಕುಣಿಕೆಗೆ ಕೊರಳೊಡ್ಡುವ ಅಥವಾ ಗುಂಡಿಗೆ ಗುಂಡಿಗೆಯೊಡ್ಡುವ ಅನಿವಾರ್ಯತೆ ಬಂದಾಗ ಅದನ್ನು ಧೈರ್ಯದಿಂದ ಸ್ವೀಕರಿಸುತ್ತಾರೆ.
ಇವರ ಸ್ವೀಕಾರದಲ್ಲಿ ಅನಿವಾರ್ಯತೆಯೇ ಪ್ರಧಾನ. ತಮ್ಮ ವ್ಯಕ್ತಿಗತವಾದ ಮನೋಭಾವದ ಕಾರಣವು ತಮ್ಮನ್ನು ನೋವಿಗೆ ಅಥವಾ ಸಾವಿಗೆ ಒಡ್ಡಿಕೊಳ್ಳುವುದಿಲ್ಲ. ಅವರ ನೋವು ಮತ್ತು ಸಾವಿನ ಕಾರಣ ಮತ್ತು ಉದ್ದೇಶವು ಆತ್ಮಕೇಂದ್ರಿತವಾಗಿರದೇ ಸಮುದಾಯ ಕೇಂದ್ರಿತವಾಗಿರುತ್ತದೆ. ಈ ವಿಷಯದಲ್ಲಿ ಸಾವಾಗಲಿ ಅಥವಾ ನೋವಾಗಲಿ ಅವರ ಬಯಕೆಯಲ್ಲ. ಅದು ಎದುರಾದಾಗ ಹಿಮ್ಮೆಟ್ಟದೆ ಅದನ್ನು ಎದುರಿಸುವುದು. ಈ ಸ್ಪಷ್ಟತೆಯನ್ನು ತಿಳಿದರೆ ಬಲಿದಾನದರಿಮೆಯ ಲಕ್ಷಣಗಳು ಅರ್ಥವಾಗುತ್ತವೆ. ಈ ಅರಿಮೆಯುಳ್ಳವರೂ ಕೂಡಾ ಹುತಾತ್ಮರಾಗಿರಬಹುದು. ಆದರೆ ಸಾಮಾನ್ಯೀಕರಿಸಲಾಗುವುದಿಲ್ಲ.
ವೀರಗಲ್ಲು ಮಾಸ್ತಿಗಲ್ಲು
ಇನ್ನು ನಮ್ಮ ಇತಿಹಾಸದಲ್ಲಿ ತಮ್ಮ ಒಡೆಯನಿಗಾಗಿ, ಊರಿಗಾಗಿ, ಗೋವುಗಳಿಗಾಗಿ ತಮ್ಮ ಪ್ರಾಣವನ್ನು ತೆತ್ತ ಗರುಡರೇ ಮೊದಲಾದ ವೀರರನ್ನು ನೋಡುತ್ತೇವೆ. ಆ ವೀರರ ಶೌರ್ಯ ಮತ್ತು ಬಲಿದಾನವನ್ನು ಗೌರವಿಸಲು ವೀರಗಲ್ಲುಗಳು ಘನತೆಯಿಂದ ನಿಂತಿರುತ್ತವೆ. ಗಂಡನನ್ನು ಕಳೆದುಕೊಂಡ ಗರತಿಯರು ಸತಿಯಾಗಲು ಚಿತೆಯಲ್ಲಿ ಸತ್ತು ಮಹಾಸತಿಯರಾಗುತ್ತಾರೆ. ಸಮಾಜ ಬಹಳ ಕಿಲಾಡಿ. ಸಾಮೂಹಿಕ ಮನಸ್ಥಿತಿಯು ದುರ್ಬಲವಾಗಿರುವ ವ್ಯಕ್ತಿಯೊಬ್ಬನ ಮನಸ್ಥಿತಿಯ ಬಲವನ್ನು ತನ್ನ ಅಸ್ತಿತ್ವಕ್ಕೆ ಬಳಸಿಕೊಳ್ಳುವುದು ಯಾವಾಗಲಿಂದಲೋ ರೂಢಿಸಿಕೊಂಡಿದೆ.
ಅವನ ಧೈರ್ಯವನ್ನು, ವೀರಾವೇಶವನ್ನು, ಪರೋಪಕಾರಿ ಗುಣವನ್ನು, ತ್ಯಾಗವನ್ನು ವೈಭವೀಕರಿಸಿ ಹೊಗಳಿ ಹೊಗಳಿ ಅದರಿಂದ ಅವನು ಗರ್ವದಿಂದ ಆ ಘನತೆಯನ್ನು ತನ್ನದಾಗಿಸಿಕೊಂಡುಬಿಟ್ಟಿರುತ್ತಾನೆ. ಪದೇ ಪದೇ ಅದನ್ನೇ ಧ್ಯಾನಿಸುತ್ತಾ ಅವನಂತರಾಳ ಅದನ್ನೊಪ್ಪಿಕೊಳ್ಳುವುದು ಮಾತ್ರವಲ್ಲದೇ ಅಪ್ಪಿಕೊಂಡಿ ಬಿಟ್ಟಿರುತ್ತದೆ. ಅವನೀಗ ಜಾಗೃತನಾಗಲಾರ, ಜಾಗೃತನಾದರೂ ಬಿಡಲಾರ. ಪಡೆದು ಸಂಭ್ರಮಿಸಿ ಗರ್ವಪಟ್ಟ ಗೌರವಕ್ಕೆ ಜವಾಬ್ದಾರನಾಗಿ ನಡೆದುಕೊಳ್ಳಬೇಕಾಗುತ್ತದೆ. ವೀರರು ವೀರಗಲ್ಲುಗಳಾಗುತ್ತಾರೆ. ಇನ್ನು ಸತಿ ಹೋಗುವ ವಿಷಯದಲ್ಲಿಯೂ ಕೂಡಾ ಸಮಾಜವು ಹೆಣ್ಣಿಗೆ ಮಾಡಿರುವ ಶೋಷಣೆಯೇ ಸರಿ. ಊರವರೆಲ್ಲಾ ಹಾಡಿ ಕೊಂಡಾಡಿ ಗಂಡ ಸತ್ತ ಒಂದು ಹೆಣ್ಣನ್ನು ಮುತ್ತೈದೆಯಾಗಿ ಸಾಯಲು ಪ್ರೇರೇಪಿಸುತ್ತಿದ್ದದ್ದು ಏನೂ ರಚನಾತ್ಮಕವೇನಲ್ಲ.
ಅವಳು ಸಮಾಜದ ಈ ವ್ಯವಸ್ಥೆಯಿಂದ ತಪ್ಪಿಸಿಕೊಳ್ಳಲಾಗದೇ ಸಾಯಬೇಕಿತ್ತು ಅಥವಾ ಸಮಾಜವು ರೂಪಿಸಿದ್ದ ಬಲಿದಾನದ ಅರಿಮೆಯ ಪ್ರಭಾವದ ಗರ್ವದಿಂದ ಚಿತೆಯೇರಬೇಕಿತ್ತು. ಪಾಪದ ಅವಳು ಮಾನಸಿಕ ಸಮಸ್ಯೆಯುಳ್ಳವಳು. ತಾನು ಗಂಡನ ಚಿತೆಯೊಂದಿಗೆ ಬೇಯುವುದಿಲ್ಲ, ನಾನು ಸಾಯುವುದಿಲ್ಲ ಎಂದು ಹೆದರಿಕೊಂಡು ಓಡೋಡಿ ಹೋಗುತ್ತಿದ್ದವಳನ್ನು ಎಳೆದೆಳೆದು ಬಲತ್ಕಾರದಿಂದ ಚಿತೆಗೆ ದೂಡಿರುವ ಉದಾಹರಣೆಗಳುಂಟು. ಒಟ್ಟಾರೆ ಆರೋಗ್ಯವಾದ ಮನಸ್ಥಿತಿಯಿರುವವಳು ಸಹಜವಾಗಿ ಇರುವುದಕ್ಕೆ ಬಿಡದೇ ಸಮಾಜವು ಅವಳನ್ನು ಕೊಲ್ಲುತ್ತಿತ್ತು. ಹಳತೆಲ್ಲಾ ಹೊನ್ನಲ್ಲ. ಮಹಾಸತಿಗಲ್ಲುಗಳು ನಮ್ಮ ಹೆಮ್ಮೆಯ ಸಂಕೇತಗಳೇನಲ್ಲ. ಇದೇ ರೀತಿ ನಮ್ಮ ಪುರಾತನರ ಬದುಕು ಮತ್ತು ಪ್ರಾಚೀನ ವ್ಯವಸ್ಥೆಗಳು ಅಧ್ಯಯನಗಳಿಗೆ ಬೇಕೇ ಹೊರತು, ಅನುಕರಣೆಗಲ್ಲ.
(ಮುಂದುವರಿಯುವುದು)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ
~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ
ಅಂಬೇಡ್ಕರ್ ಅವರು ಭಾರತದ ಚರಿತ್ರೆಗಳ ರಚನೆಗೆ ಪ್ರಾಯೋಗಿಕ ಉಪಕರಣಗಳನ್ನು (ಎಂಪರಿಕಲ್ ಟೂಲ್ಸ್) ಬಳಸಿರುತ್ತಾರೆ. ಆದರೆ ಈ ಎಲ್ಲ ಉಪಕರಣಗಳು ಕೇವಲ ಚರಿತ್ರೆಯ ರಚನೆಗೆ ಮಾತ್ರ ಕಾರಣವಾಗದೆ, ಸಮೂಹಗಳ ಸಾಮಾಜಿಕ-ರಾಜಕೀಯ ಸಮಾನತೆ, ಸ್ವಾಯತ್ತತೆಯನ್ನೂ ಕಲ್ಪಿಸುವುದಕ್ಕೂ ಬದ್ಧವಾಗಿರುತ್ತವೆ. ಆರ್ಥಿಕತೆಯ ನಿಲುವುಗಳ ಮೂಲಕ ಭಾರತದ ಚರಿತ್ರೆಯನ್ನು ವ್ಯಾಖ್ಯಾನಿಸುವ ಕ್ರಮಗಳನ್ನು ಅಂಬೇಡ್ಕರ್ ಅವರು ಅತ್ಯಂತ ಕಟುವಾಗಿಯೇ ವಿಮರ್ಶಿಸುತ್ತಾರೆ.
ಸಮಾಜವಾದಿಗಳು ಮತ್ತು ಮಾರ್ಕ್ಸ್ವಾದಿಗಳು ಆರ್ಥಿಕತೆಯ ನೆಲೆಯಿಂದ ಭಾರತದಲ್ಲಿ ಚರಿತ್ರೆಗಳನ್ನು ನಿರ್ವಚಿಸುವ ಪ್ರಯತ್ನವನ್ನು ಮಾಡಿರುತ್ತಾರೆ ಎನ್ನುವುದನ್ನು ಇಲ್ಲಿ ಗಮನಿಸಬಹುದು. ಭಾರತದ ಚರಿತ್ರೆಗಳಲ್ಲಿ ದಾಖಲಾಗಿರುವ ಯಾವುದೇ ರಾಜಕೀಯ ಕ್ರಾಂತಿ/ಹೋರಾಟಗಳು ಯಾವಾಗಲೂ ಸಾಮಾಜಿಕ-ಧಾರ್ಮಿಕ ಕ್ರಾಂತಿಗಳಿಂದ ಮಾತ್ರ ಕೂಡಿರುವುದನ್ನೂ ಅಂಬೇಡ್ಕರ್ ಅವರು ಇಲ್ಲಿ ಗುರುತಿಸುತ್ತಾರೆ. ಭಾರತದಲ್ಲಿ ಅಷ್ಟೆಯಲ್ಲ, ಅಮೆರಿಕ, ಯುರೋಪ್, ಅರೇಬಿಯಾ ದೇಶಗಳಲ್ಲಿಯೂ ಇದೇ ಬಗೆಯ ಚರಿತ್ರೆಯ ನಿರ್ಮಾಣವು ನಡೆದಿರುವುದನ್ನು ನೋಡುತ್ತೇವೆ. ಮತ್ತು ಶಿವಾಜಿ, ಚಂದ್ರಗುಪ್ತ ಮೌರ್ಯ, ಸಿಖ್ ರಾಜ್ಯಗಳ ರಾಜರುಗಳಿಂದ ಕೈಗೊಳ್ಳಲಾದ ರಾಜಕೀಯ ಕ್ರಾಂತಿಗಳು, ಬುದ್ಧ, ಗುರು ನಾನಕ್ ಹಾಗೂ ಇತರ ಸಾಧು ಸಂತರ ಸಾಮಾಜಿಕ, ಧಾರ್ಮಿಕ ಚಳವಳಿಗಳ ಮೂಲಕ ಕಂಡಿರುತ್ತೇವೆ.
ಆದರೆ ಪರಿಣಾಮಗಳಲ್ಲಿ ಅಗಾಧವಾದ ವ್ಯತ್ಯಾಸಗಳನ್ನೂ ನಾವು ಇವತ್ತು ಕಾಣುತ್ತೇವೆ ಹಾಗೂ ಭಾರತದ ಚರಿತ್ರೆಗಳನ್ನು ಕುರಿತು ಬ್ರಿಟಿಶರು ತಾಳಿರುವ ಧೋರಣೆಗಳು ಅತ್ಯಂತ ದೋಷಪೂರಿತ ನೆಲೆಗಳಿಂದ ಕೂಡಿದ್ದವು ಎಂಬುದನ್ನು ಅಂಬೇಡ್ಕರ್ ಅವರು ಅತ್ಯಂತ ಬಲವಾಗಿ ನಂಬಿದ್ದರು. ಮತ್ತು ಅವುಗಳನ್ನು ಬಿಡಿಸಿ ತೋರಿಸುವುದಕ್ಕೆ ಬೇಕಾದ ಪರಿಕರಗಳನ್ನೂ ತಮ್ಮ ಅಧ್ಯಯನಗಳ ಮೂಲಕ ರೂಪಿಸಿರುತ್ತಾರೆ.
ಭಿನ್ನ ಸಂವೇದನೆಯ ಮೂಲಕ ಭಾರತವನ್ನು ಗ್ರಹಿಸಿದ ಅಂಬೇಡ್ಕರ್ ಚಿಂತನೆಗಳು ಹಾಗೂ ಸಾಮಾಜಿಕವಾಗಿ ಅತ್ಯಂತ ಸೂಕ್ಷ್ಮ ನಿಲುವುಗಳಾಗಿ ಯಾವತ್ತಿಗೂ ಚರ್ಚೆಗೆ ಒಳಪಡುತ್ತಿರುವ ‘ಅಲ್ಪಸಂಖ್ಯಾತರು’ ‘ಲಿಂಗ’ ಹಾಗೂ ‘ಜಾತಿ’ಗಳ ನಡುವೆ ಒಂದು ಬಗೆಯ ತಾರ್ಕಿಕ ನಂಟನ್ನು ಏರ್ಪಡಿಸಬಹುದು. ರಾಷ್ಟ್ರೀಯತೆಯ ಜೊತೆಗೆ ಅಲ್ಪಸಂಖ್ಯಾತರು, ಲಿಂಗ ಹಾಗೂ ಜಾತಿಯ ವಿನ್ಯಾಸಗಳನ್ನು ಇಟ್ಟು ನೋಡಿದರೆ, ರಾಷ್ಟ್ರೀಯತೆ ಎನ್ನುವುದು ಕೇವಲ ಏಕಾಕೃತಿಯ ನೆಲೆಯನ್ನಾಗಿ ಬಿಂಬಿಸಲಾಗುತ್ತದೆ. ಇಂತಹ ಏಕಾಕೃತಿ ನಿಲುವುಗಳನ್ನು ಭಗ್ನ ಮಾಡುವ ಅತ್ಯಂತ ಪ್ರಖರವಾದ ಚಿಂತನೆಗಳನ್ನು, ಅಲ್ಪಸಂಖ್ಯಾತ, ಲಿಂಗ, ಜಾತಿ ಮತ್ತು ಧರ್ಮಗಳ ವಿನ್ಯಾಸಗಳನ್ನು ನೆಲೆಯಾಗಿಸಿಕೊಂಡು ಅಂಬೇಡ್ಕರ್ ಅವರು ಚಿಂತಿಸಿರುತ್ತಾರೆ. ಹಾಗೂ ಈ ಚಿಂತನೆಗಳ ಮುಖೇನವೇ ಸಾಂಸ್ಕೃತಿಕ-ಚಾರಿತ್ರಿಕ ಬಹುಳತೆಯನ್ನು ಕಂಡರಿಸುವ ದಾರಿಗಳನ್ನೂ ಅವರ ಚಿಂತನೆಗಳಲ್ಲಿ ಕಾಣಬಹುದಾಗಿದೆ.
ಅಂದರೆ ಅಂಬೇಡ್ಕರ್ ಅವರ ಸೈದ್ಧಾಂತಿಕ ತಿಳಿವಿನ ಚೌಕಟ್ಟನ್ನು ಅರಿಯಬೇಕೆಂದರೆ, ಅವರು ಫ್ರೆಂಚ್ ಕ್ರಾಂತಿಯಿಂದ ಎರವಲು ಪಡೆದಿರುವ ಸಾಮಾಜಿಕ-ರಾಜಕೀಯ ‘ತ್ರಿಕೂಟ’ (ಟ್ರಿನಿಟಿ) ಪರಿಕಲ್ಪನೆಗಳನ್ನು ಇಲ್ಲಿ ನಾವು ಪರಿಗಣನೆಗೆ ತೆಗೆದುಕೊಳ್ಳುವ ಅಗತ್ಯವಿದೆ. ‘ಸ್ವಾತಂತ್ರ್ಯ, ಸಮಾನತೆ ಹಾಗೂ ಸಹೋದರತ್ವ’ ಎಂಬುದಾಗಿ ಈ ತ್ರಿಕೂಟ ಪರಿಕಲ್ಪನೆಗಳನ್ನು ಗುರುತಿಸಬಹುದು.
ಫ್ರೆಂಚ್ ಕ್ರಾಂತಿಯ ನಿಲುವುಗಳನ್ನು ಕುರುಡಾಗಿ ಅನುಕರಿಸುವುದಾಗಲೀ ಇಲ್ಲವೇ ಆ ಕ್ರಾಂತಿಯ ನಿಲುವುಗಳನ್ನು ಯಥಾವತ್ತಾಗಿ ಪಾಲಿಸುವುದಾಗಲೀ ಅಂಬೇಡ್ಕರ್ ಅವರ ಉದ್ದೇಶವಾಗಿರಲಿಲ್ಲ. ಆದರೆ ಈ ಕ್ರಾಂತಿಯಿಂದ ಪ್ರೇರಣೆಯನ್ನು ಮಾತ್ರ ಪಡೆದುಕೊಂಡಿರುತ್ತಾರೆ. ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳನ್ನು ಮರುಪರೀಕ್ಷಿಸುವುದು ಅಷ್ಟೆಯಲ್ಲದೆ ಅವುಗಳನ್ನು ಮರು ವಿನ್ಯಾಸಗೊಳಿಸಿರುವುದನ್ನೂ ಇಲ್ಲಿ ನೋಡಬಹುದು. ಅಂದರೆ, ಫ್ರೆಂಚ್ ಕ್ರಾಂತಿಯ ಸನ್ನಿವೇಶಕ್ಕಿಂತ ಮಿಗಿಲಾದ ಸಾಮಾಜಿಕ-ಸಾಂಸ್ಕೃತಿಕ ಆಯಾಮ ಮತ್ತು ಅರ್ಥಗಳನ್ನು ಅಂಬೇಡ್ಕರ್ ಅವರು ಈ ಪರಿಕಲ್ಪನೆಗಳಿಗೆ ಕೊಟ್ಟಿರುತ್ತಾರೆ.
ಜಾತಿಕೇಂದ್ರಿತವಾದ ಭಾರತ ದೇಶವು ವರ್ಗಕೇಂದ್ರಿತವಾದ ಫ್ರೆಂಚ್ ದೇಶಕ್ಕಿಂತ ಸಹಜವಾಗಿಯೇ ಭಿನ್ನವಾಗಿದೆ. ಈ ಸಾಮಾಜಿಕ ವಿನ್ಯಾಸಕ್ಕೆ ಅನುಗುಣವಾಗಿಯೇ ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳ ತಾತ್ವಿಕತೆಯನ್ನು ರೂಪಿಸಿರುತ್ತಾರೆ. ಸಮೂಹಗಳ ಒಳ್ಳೆಯ ಬದುಕಿಗೆ ಈ ತ್ರಿಕೂಟಗಳು ಅತ್ಯಂತ ಅವಶ್ಯವೆಂಬುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು (ರೊಡ್ರಿಗಸ್, 2002). ಚರಿತ್ರೆಯ ನಿರ್ಮಾಣದಲ್ಲಿ ಹಾಗೂ ಸಾಮಾಜಿಕ ಬದುಕುಗಳನ್ನು ಕಟ್ಟಿಕೊಳ್ಳುವಲ್ಲಿ ಈ ಸಮಾನತೆ, ಸ್ವಾತಂತ್ರ್ಯ ಹಾಗೂ ಸಹೋದರತ್ವವು ಎಷ್ಟೊಂದು ಮಹತ್ವದ ಪಾತ್ರವನ್ನು ವಹಿಸಬಲ್ಲವು ಎನ್ನುವುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು.
ಅಂಬೇಡ್ಕರ್ ಅವರು ಗಾಂಧಿ ಮತ್ತು ಕಾಂಗ್ರೇಸ್ ಸಂಘಟನೆಯನ್ನು ಕುರಿತು ‘ವ್ಹಾಟ್ ಗಾಂಧಿ ಆ್ಯಂಡ್ ಕಾಂಗ್ರೇಸ್ ಹ್ಯಾವ್ ಡನ್ ಟು ದ ಅನ್ಟಚೇಬಲ್ಸ್’ ಎಂಬ ಬರಹದಲ್ಲಿ ಸಮೂಹಗಳ ಏಳ್ಗೆಯ ನೆಲೆಯಿಂದ ವಿಶ್ಲೇಷಣೆ ಮಾಡಿರುತ್ತಾರೆ. ಅಂದರೆ ಸ್ವಾತಂತ್ರ್ಯ, ಸಮಾನತೆ ಮತ್ತು ಸಹೋದರತ್ವದಂತಹ ತ್ರಿಕೂಟ ಕಲ್ಪನೆಗಳು ಸಮೂಹಗಳ ಅಸ್ತಿತ್ವ, ಅಸ್ಮಿತೆ ಹಾಗೂ ಪ್ರಜ್ಞೆಯನ್ನು ಕುರಿತು ಮಾತ್ನಾಡಿದರೆ, ಕಾಂಗ್ರೆಸ್ ಸಂಘಟನೆಯು ರಾಷ್ಟ್ರೀಯತೆಯ ಕಲ್ಪನೆಯ ಬಗೆಗೆ ಮಾತ್ರ ಹೆಚ್ಚು ಕಾಳಜಿಯನ್ನು ವಹಿಸಿರುವುದನ್ನು ಇಲ್ಲಿ ನೋಡುತ್ತೇವೆ. ಆದರೆ ಗಾಂಧೀಜಿಯವರು ಸಾಂಪ್ರದಾಯಿಕ ರಾಷ್ಟ್ರೀಯತೆಯನ್ನು ಕುರಿತು ಯೋಚಿಸಿದರೆ, ನೆಹರೂ ಅವರು ಸಮಾಜವಾದದ ನೆಲೆಯಿಂದ ರಾಷ್ಟ್ರೀಯತೆಯ ಪ್ರಜ್ಞೆಯನ್ನು ರೂಪಿಸುವ ತುಡಿತವನ್ನು ಹೊಂದಿದ್ದರು. ಒಟ್ಟಾರೆ ರಾಷ್ಟ್ರೀಯತೆ ಬಗೆಗಿನ ನಿಲುವುಗಳಲ್ಲಿ ಬಹುಸಮಾಜಗಳು ಎದುರಿಸುವ ಸಾಮಾಜಿಕ-ರಾಜಕೀಯ ಬಿಕ್ಕಟ್ಟುಗಳು ಮಹತ್ವವನ್ನು ಪಡೆಯದೆ, ಕೇವಲ ರಾಷ್ಟ್ರ ಮತ್ತು ರಾಷ್ಟ್ರೀಯತೆಯ ಕುರಿತಾದ ಮೌಲ್ಯಗಳು ಮಾತ್ರ ಮುಂಚೂಣಿಗೆ ಬರುತ್ತವೆ.
ಹಾಗಾಗಿ ಭಾರತದ ಚರಿತ್ರೆಗಳಲ್ಲಿ ರಾಷ್ಟ್ರ, ರಾಷ್ಟ್ರ ಪ್ರಭುತ್ವ ಹಾಗೂ ರಾಷ್ಟ್ರೀಯತೆಗಳ ಮಹತ್ವ ಮತ್ತು ಹಿರಿಮೆಯ ಬಗೆಗಿರುವ ಕಾಳಜಿಗಳು, ಸಾಮಾಜಿಕ ಚರಿತ್ರೆಯನ್ನು ಬಿಂಬಿಸುವಲ್ಲಿ ಗೈರು ಆಗಿರುತ್ತವೆ. ಅಂಬೇಡ್ಕರ್ ಅವರು ಇಂತಹ ಚಾರಿತ್ರಿಕ ಲೋಪಗಳನ್ನು ಗುರುತಿಸುವ ಜೊತೆಗೆ, ರಾಜಕೀಯ ಪ್ರೇರಿತವಾದ ಚರಿತ್ರೆಗಳಿಗಿಂತ, ಸಾಮಾಜಿಕ ನೆಲೆಗಳಿಂದ ಚರಿತ್ರೆಯನ್ನು ಬರೆಯುವುದು ಎಷ್ಟೊಂದು ಮಹತ್ವದ ಕೆಲಸವೆಂಬುದನ್ನೂ ಮನಗಾಣಿಸಿದ್ದಾರೆ. ಸಾಮಾಜಿಕ ಚರಿತ್ರೆಗಳನ್ನು ಕಡೆಗಣಿಸಿ ರಾಷ್ಟ್ರೀಯತೆಯ ಕಲ್ಪನೆಯನ್ನು ಊಹಿಸುವುದು ಕೂಡ ದುಸ್ತರದ ಸಂಗತಿಯೆಂಬುದನ್ನು ಅಂಬೇಡ್ಕರ್ ಅವರು ಚಿಂತನೆಗಳು ನಮಗೆ ಮನವರಿಕೆ ಮಾಡುತ್ತವೆ. ಈ ಕಾರಣಗಳಿಂದ ‘ಚರಿತ್ರೆಯನ್ನು ಮರೆತವರು ಚರಿತ್ರೆಯನ್ನು ಸೃಷ್ಟಿಸಲಾರರು’ ಎಂಬ ನಿಲುವನ್ನು ಅತ್ಯಂತ ಬಲವಾಗಿಯೇ ಅಂಬೇಡ್ಕರ್ ಅವರು ನಂಬಿರುತ್ತಾರೆ ಎಂಬುದು ಅತ್ಯಂತ ಗಮನಾರ್ಹ ಸಂಗತಿ.
ಚರಿತ್ರೆ ಎಂಬುದು ಒಂದು ಕನಸಾಗಲೀ ಇಲ್ಲವೇ ಭ್ರಮೆಯಾಗಲೀ ಅಲ್ಲ ಹಾಗೂ ಚರಿತ್ರೆಯೆಂಬುದು ಒಂದು ನಿರ್ವಾತವೂ ಅಲ್ಲ ಮತ್ತು ತೆರಪುಗಳನ್ನು ತುಂಬುವ ಪ್ರಕ್ರಿಯೆಯೂ ಅಲ್ಲ. ಬದಲಾಗಿ ಅದೊಂದು ಸಾಮಾಜಿಕ-ಸಾಂಸ್ಕೃತಿಕ-ರಾಜಕೀಯ ಗ್ರಹಿಕೆ ಮತ್ತು ಜ್ಞಾನಶಿಸ್ತು ಆಗಿರುತ್ತದೆ. ಜ್ಞಾನಶಿಸ್ತುಗಳು ಮತ್ತು ಗ್ರಹಿಕೆಗಳು ಸಮೂಹ ಕೇಂದ್ರಿತವಾಗಿರುಬೇಕೆ ಹೊರತು ಕೇವಲ ರಾಜಕೀಯ-ಸಾಮಾಜಿಕ ಪ್ರಾಬಲ್ಯವನ್ನು ಹೊಂದಿರುವ ವ್ಯಕ್ತಿಗಳ ಇಲ್ಲವೇ ಆಳುವ ವರ್ಗಗಳನ್ನು ಮಾತ್ರ ಪ್ರತಿನಿಧಿಸುವ ವಿನ್ಯಾಸಗಳಾಗಿ ಇವುಗಳು ಇರಲಾರವು. ಚರಿತ್ರೆಯೂ ಒಂದು ಜ್ಞಾನಶಿಸ್ತೇ ಆಗಿರುವುದರಿಂದ, ಇದು ಬಹುಸಮೂಹಗಳನ್ನು ಪ್ರತಿನಿಧಿಸುವ ವಿನ್ಯಾಸವಾಗಬೇಕು ಎಂಬ ಅಚಲವಾದ ನಿಲುವನ್ನು ಅಂಬೇಡ್ಕರ್ ಅವರು ತಾಳಿದ್ದರು. ಯಾವುದೇ ಗ್ರಹಿಕೆಯು ಸಮೂಹ ಕೇಂದ್ರಿತವಾಗಿರುತ್ತದೆ ಎನ್ನುವ ನಿಲುವಿನಲ್ಲಿ ಅಂಬೇಡ್ಕರ್ ಅವರಿಗೆ ತಾತ್ವಿಕ ಹಾಗೂ ವೈಯಕ್ತಿಕವಾಗಿ ಅಪಾರವಾದ ನಂಬಿಕೆಯಿತ್ತು.
ಹಾಗಾಗಿ ಅಂಬೇಡ್ಕರ್ ಅವರು ನಿನ್ನೆಗಳನ್ನು ಕುರಿತಾದ ತಾತ್ವಿಕ ಪ್ರಶ್ನೆಗಳನ್ನು ಮೈಮೇಲೆ ಎಳೆದುಕೊಂಡು, ಅವುಗಳಿಗೆ ಉತ್ತರಗಳನ್ನು ಹುಡುಕುವ ಪ್ರಯತ್ನವನ್ನು ಮಾಡಿರುತ್ತಾರೆ. ನಿನ್ನೆಗಳು ತಮ್ಮ ಹಕ್ಕುಗಳೆಂದು ಯಾರು ವಾದಿಸುವವರೋ ಅವರೆಲ್ಲರಿಗೂ, ವರ್ತಮಾನದಲ್ಲಿ ಉಂಟಾಗಿರುವ ಬಿಕ್ಕಟ್ಟುಗಳಿಗೆ ಈ ನಿನ್ನೆಗಳು ಹೇಗೆ ಹೊಣೆಯಾಗಿವೆ ಎಂಬ ದಿಟವನ್ನು ಅರಿಯುವುದಕ್ಕೆ ಬೇಕಾದ ವಿಶ್ಲೇಷಣೆಗಳನ್ನು ಇವರು ಮಾಡಿರುತ್ತಾರೆ. ಅಂಬೇಡ್ಕರ್ ಅವರ ಈ ಹಾದಿಯು ಎಲ್ಲರಿಗೂ ಒಪ್ಪಿತವಾಗುವ ಸತ್ಯವನ್ನು ಹೇಳುವುದಲ್ಲ. ಬದಲಾಗಿ, ಎಲ್ಲ ಸಮೂಹಗಳ ಇವತ್ತಿನ ಬದುಕಿಗೆ ಅಗತ್ಯವಾಗಿರುವ ಹಾದಿಗಳನ್ನು ರೂಪಿಸುವುದಾಗಿತ್ತು. ಆದ್ದರಿಂದ, ಸದ್ಯದ ಚರಿತ್ರೆ, ಸಾಹಿತ್ಯ, ಸಂಸ್ಕೃತಿ, ಆರ್ಥಿಕತೆ ಹಾಗೂ ರಾಜಕಾರಣವನ್ನು ವಿಶ್ಲೇಷಿಸುವುದಕ್ಕೆ ಅಂಬೇಡ್ಕರ್ ಅವರು ರೂಪಿಸಿದ ಈ ತಾತ್ವಿಕ ವಿನ್ಯಾಸಗಳು ಅತ್ಯಂತ ಸಮರ್ಪಕವಾಗಿರುತ್ತವೆ. ಇವರ ಈ ತಾತ್ವಿಕ ವಿನ್ಯಾಸಗಳಲ್ಲಿ ಅನ್ಯ ಪ್ರಭಾವಕ್ಕಿಂತ ಪ್ರೇರಣೆಗಳನ್ನು ಮಾತ್ರ ನಾವು ಕಾಣುತ್ತೇವೆ. ಆದ್ದರಿಂದ ಅಂಬೇಡ್ಕರ್ ಅವರು ರೂಪಿಸಿದ ಮರುರಚನೆಯ (ರೀಕನ್ಸ್ಟ್ರಕ್ಸನ್) ಮಾದರಿಗಳು ಕೇವಲ ತೆರಪುಗಳನ್ನು ತುಂಬುವ ರಚನೆಗಳಾಗದೆ, ವರ್ತಮಾನದ ಬಿಕ್ಕಟ್ಟುಗಳಿಗೆ ಇವುಗಳು ಹೇಗೆ ಕಾರಣವಾಗಿರುತ್ತವೆ ಹಾಗೂ ಇವುಗಳಿಗೆ ಉತ್ತರಗಳನ್ನು ಕಂಡುಕೊಳ್ಳುವ ಬಗೆಗಳಾವುವು ಎಂಬೆಲ್ಲ ಸಂಗತಿಗಳನ್ನು ಕುರಿತು ಅತ್ಯಂತ ವಸ್ತುನಿಷ್ಠ ವಿಶ್ಲೇಷಣೆಗಳನ್ನು ತಮ್ಮ ಬರಹಗಳಲ್ಲಿ ಮಾಡಿರುತ್ತಾರೆ.
ಅಂಬೇಡ್ಕರ್ ಅವರಿಗಿಂತ ಮೊದಲು ಇಂತಹದೊಂದು ನೋಟಕ್ರಮಕ್ಕೆ ಚಾಲನೆಯನ್ನು ಕೊಟ್ಟವರು ಜ್ಯೋತಿರಾವ್ ಫುಲೆಯವರು. ಆದರೆ ಇವರಿಬ್ಬರ ತಿಳಿವಳಿಕೆಗಳನ್ನು ಹೋಲಿಸಿ ನೋಡುವ ಉದ್ದೇಶಕ್ಕಿಂತ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳು ಬೆಳೆಯುವುದಕ್ಕೆ ಬೇಕಾಗಿರುವ ಚಾರಿತ್ರಿಕ ಒತ್ತಡಗಳು ಹೇಗಿರುತ್ತವೆ ಎಂಬ ದಿಟವನ್ನು ಅರಿಯುವುದಕ್ಕೆ, ಫುಲೆಯವರ ಚಿಂತನೆಗಳನ್ನು ಇಲ್ಲಿ ಚರ್ಚಿಸಲಾಗಿದೆ. ಹಾಗೂ ಭಾರತದ ಸನ್ನಿವೇಶದಲ್ಲಿ ಚರಿತ್ರೆ ಕಥನಶಾಸ್ತ್ರಗಳ ವಿಭಿನ್ನ ಸ್ವರೂಪವನ್ನೂ ಈ ಮೂಲಕ ಅರಿಯಬಹುದಾಗಿದೆ. ಜ್ಞಾನಶಿಸ್ತುಗಳನ್ನು ರೂಪಿಸುವ ಪ್ರಕ್ರಿಯೆಯ ಭಾಗವಾಗಿ ಈ ಹಾದಿಯನ್ನು ಕರ್ನಾಟಕದ ವಿದ್ವತ್ ಲೋಕದಲ್ಲಿ ಇಡೀಯಾಗಿ ಅನುಸರಿಸುವುದನ್ನು ನಾನು ಕಾಣಲಾರೆ.
ಅಂದರೆ ಯಾರೂ ಈ ಹಾದಿಯನ್ನು ತುಳಿಯುತ್ತಿಲ್ಲವೆಂದು ಅರ್ಥವಲ್ಲ. ಬದಲಾಗಿ ಇದುವೇ ಮುಖ್ಯಧಾರೆ ಚಿಂತನೆಯ ಕ್ರಮವಾಗಿ ಭಾರತ ಇಲ್ಲವೇ ಕರ್ನಾಟಕದಲ್ಲಿ ಇನ್ನೂ ಬೆಳೆದಿಲ್ಲವೆಂದರ್ಥ. ಆದರೆ ಅಂಬೇಡ್ಕರ್ ಚಿಂತನೆಯ ಮಾದರಿಯೆಂಬುದನ್ನು ಕೇವಲ ಪರ್ಯಾಯ ಆಲೋಚನೆಯ ಕ್ರಮವನ್ನಾಗಿ ಮಾತ್ರ ನೋಡಲಾಗಿದೆ. ಈ ನಿಲುವು ಸರಿಯಲ್ಲ. ಏಕೆಂದರೆ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳೇ ನಮ್ಮ ಮುಖ್ಯಧಾರೆಯ ಆಲೋಚನೆಯ ಕ್ರಮಗಳಾಗಬೇಕಾದ ತುರ್ತು ಇದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ
~ಗೋವರ್ಧನ ನವಿಲೇಹಾಳು
ಮಧ್ಯ ಕರ್ನಾಟಕದ ಹೃದಯಭಾಗವಾದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಈಗ ಉಪಚುನಾವಣೆಯ ಕಾವು ಏರುತ್ತಲೇ ಇದೆ. ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದಾಗಿ ಖಾಲಿಯಾದ ಈ ಕ್ಷೇತ್ರದಲ್ಲಿ ಏಪ್ರಿಲ್ 9, 2026ರಂದು ಮತದಾನ ನಡೆಯಲಿದೆ. ಫಲಿತಾಂಶ ಮೇ 4ರಂದು ಪ್ರಕಟವಾಗಲಿದೆ. ಈ ಉಪಚುನಾವಣೆಯು ಕೇವಲ ಒಂದು ಸೀಟಿನ ಹೋರಾಟವಲ್ಲ; ಇದು ಕರ್ನಾಟಕ ರಾಜಕೀಯದಲ್ಲಿ ಪ್ರತಿಷ್ಠೆ, ಕುಟುಂಬ ವಾರಸುದಾರಿಕೆ, ಸಮುದಾಯ ಸಮೀಕರಣಗಳು ಮತ್ತು ಅಭಿವೃದ್ಧಿ ನಿರೀಕ್ಷೆಗಳ ನಡುವಿನ ಸಂಕೀರ್ಣ ಸಮರವಾಗಿದೆ.
ಶಾಮನೂರು ಶಿವಶಂಕರಪ್ಪ ಅವರು ತಾನು ಸ್ಪರ್ಧಿಸಿದ ಈ ಕ್ಷೇತ್ರವನ್ನು ಎಂದೂ ಸೋಲದೆ ಉಳಿಸಿಕೊಂಡಿದ್ದರು. ಅವರ ನಂತರ ಕಾಂಗ್ರೆಸ್ ಪಕ್ಷವು ಅವರ ಮೊಮ್ಮಗ ಸಮರ್ಥ್ ಶಾಮನೂರು ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ಇದು ಕಾಂಗ್ರೆಸ್ ಹೇಳುವಂತೆ “ಕುಟುಂಬಕ್ಕೆ ಟಿಕೆಟ್ ನೀಡುವ ಸಾಂಪ್ರದಾಯಿಕ ನಡೆ”ಯಾಗಿದೆ. ಬಿಜೆಪಿ ಪಕ್ಷವು ಶ್ರೀನಿವಾಸ್ ಟಿ. ದಾಸಕರಿಯಪ್ಪ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದೆ. ಇದರ ಜೊತೆಗೆ SDPIಯ ಅಫ್ಸರ್ ಕೊಡ್ಲಿಪೇಟೆ, ಸಾದಿಕ್ ಪೈಲ್ವಾನ್ ಸೇರಿದಂತೆ 25 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಆದರೆ ಮುಖ್ಯ ಹೋರಾಟ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆಯೇ ಇದೆ .
ಈ ಉಪಚುನಾವಣೆಯಲ್ಲಿ ಮುಸ್ಲಿಂ ಸಮುದಾಯದ ಪಾತ್ರ ನಿರ್ಣಾಯಕವಾಗಿದೆ. ಕ್ಷೇತ್ರದಲ್ಲಿ ಮುಸ್ಲಿಂ ಮತದಾರರ ಸಂಖ್ಯೆ ಸುಮಾರು 40% ಇದೆ ಎಂದು ಅಂದಾಜು. ಶಾಮನೂರು ಕುಟುಂಬಕ್ಕೆ ಐತಿಹಾಸಿಕ ಬೆಂಬಲವಿದ್ದರೂ, ಈ ಬಾರಿ ಮುಸ್ಲಿಂ ನಾಯಕರು ಟಿಕೆಟ್ ಆಕಾಂಕ್ಷೆಯನ್ನು ವ್ಯಕ್ತಪಡಿಸಿದ್ದರು. ಕಾಂಗ್ರೆಸ್ ಪಕ್ಷವು ಕುಟುಂಬ ವಾರಸುದಾರಿಕೆಯನ್ನು ಆಯ್ಕೆ ಮಾಡಿದ್ದಕ್ಕೆ ಅಸಮಾಧಾನ ವ್ಯಕ್ತವಾಗಿದೆ. ಸಚಿವ ಜಮೀರ್ ಅಹಮದ್ ಅವರ ಪ್ರಚಾರ ಮತ್ತು ಸಿಎಂ ಸಿದ್ದರಾಮಯ್ಯ ಅವರ ಭೇಟಿಗಳು ಈ ಅಸಮಾಧಾನವನ್ನು ತಣಿಸುವ ಪ್ರಯತ್ನವಾಗಿದೆ. ಆದರೆ ಮುಸ್ಲಿಂ ಮತಗಳ ವಿಭಜನೆಯ ಸಾಧ್ಯತೆ ಇದೆ. SDPI ಮತ್ತು ಇತರ (ಕಾಂಗ್ರೆಸ್ ಸಾದಿಕ್ ಅವರನ್ನು ಪೈಲ್ವಾನ್ ತಟಸ್ಥರಾಗಿರುವಂತೆ ಹೇಳಿದೆ) ಮುಸ್ಲಿಂ ಅಭ್ಯರ್ಥಿಗಳು ಈ ವಿಭಜನೆಯನ್ನು ಹೆಚ್ಚಿಸುವ ಸಾಧ್ಯತೆಯಿದೆ. ಬಿಜೆಪಿ ಎಸ್ಟಿ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಅಹಿಂದ ಮತಗಳನ್ನು ಸೆಳೆಯುವ ತಂತ್ರ ರೂಪಿಸಿದೆ.
ಕಾಂಗ್ರೆಸ್ ಪಕ್ಷಕ್ಕೆ ಈ ಉಪಚುನಾವಣೆ ಪ್ರತಿಷ್ಠೆಯ ವಿಷಯವಾಗಿದೆ. ರಾಜ್ಯದಲ್ಲಿ ಆಡಳಿತಾರೂಢ ಪಕ್ಷವಾಗಿ ತನ್ನ ಬಲವನ್ನು ಉಳಿಸಿಕೊಳ್ಳುವುದು ಅತ್ಯಗತ್ಯ. ಸಿಎಂ ಸಿದ್ದರಾಮಯ್ಯ ಅವರು ಬಜೆಟ್ನಲ್ಲಿ ದಾವಣಗೆರೆ ದಕ್ಷಿಣಕ್ಕೆ 100 ಕೋಟಿ ರೂಪಾಯಿ ಅನುದಾನ ಘೋಷಿಸಿದ್ದು, ಇದು ಉಪಚುನಾವಣೆಗೆ ಮುನ್ನ ಜನರನ್ನು ಆಕರ್ಷಿಸುವ ಪ್ರಯತ್ನವಾಗಿ ಕಾಣುತ್ತಿದೆ. ಅನುಕಂಪದ ಅಲೆಯೂ ಕಾಂಗ್ರೆಸ್ಗೆ ಬೆಂಬಲ ನೀಡುವ ಸಾಧ್ಯತೆಯಿದೆ. ಆದರೆ ಪಕ್ಷದಲ್ಲಿ ಬಂಡಾಯದ ಬಿಸಿ ತಟ್ಟಿದೆ. ಕಾಂಗ್ರೆಸ್ ನ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಅವರನ್ನು ಪಕ್ಷ ಚುನಾವಣೆಯಲ್ಲಿ ತಟಸ್ಥರಾಗಿರುವಂತೆ ಹೇಳಿದೆ. ಆದರೆ ಇದು ಮುಸಲ್ಮಾನರ ಒಳಮುನಿಸನ್ನು ತಣಿಸುತ್ತದೆಯೇ ಅಥವಾ ಮತ ವಿಭಜನೆಗೆ ಕಾರಣವಾಗುತ್ತದೆಯೇ ಎಂಬುದು ಫಲಿತಾಂಶದ ಮೇಲೆ ಪರಿಣಾಮವನ್ನಂತೂ ಬೀರುತ್ತದೆ.
ಬಿಜೆಪಿ ಪಕ್ಷಕ್ಕೆ ಇದು ನೈತಿಕ ಸ್ಥೈರ್ಯವನ್ನು ಹೆಚ್ಚಿಸುವ ಅವಕಾಶ. 2023ರ ವಿಧಾನಸಭಾ ಚುನಾವಣೆಯಲ್ಲಿ ಶಾಮನೂರು ಶಿವಶಂಕರಪ್ಪ ಅವರು ಬಿಜೆಪಿ ಅಭ್ಯರ್ಥಿ ಅಜಯ್ ಕುಮಾರ್ ಅವರನ್ನು ಸುಮಾರು 27,888 ಮತಗಳ ಅಂತರದಿಂದ ಸೋಲಿಸಿದ್ದರು. ಈ ಬಾರಿ ಬಿಜೆಪಿ “ಬದಲಾವಣೆ”ಯ ಸಂದೇಶವನ್ನು ನೀಡುತ್ತಿದೆ. ಅಭಿವೃದ್ಧಿ ಕೊರತೆ, ಗ್ಯಾರಂಟಿ ಯೋಜನೆಗಳ ವೆಚ್ಚ ಮತ್ತು ಸರ್ಕಾರದ ನೀತಿಗಳ ವಿರುದ್ಧ ವಾಗ್ದಾಳಿ ನಡೆಸುತ್ತಿದೆ. ಶ್ರೀನಿವಾಸ್ ದಾಸಕರಿಯಪ್ಪ ಅವರು ಕುಟುಂಬ ರಾಜಕಾರಣಕ್ಕೆ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ. ಆದರೆ ಬಿಜೆಪಿಗೆ ಕ್ಷೇತ್ರದಲ್ಲಿ ಐತಿಹಾಸಿಕ ಬೆಂಬಲ ಕಡಿಮೆ. ಮುಸ್ಲಿಂ ಮತ್ತು ಅಹಿಂದ ಮತಗಳನ್ನು ತನ್ನತ್ತ ಸೆಳೆಯುವುದು ಅವರ ದೊಡ್ಡ ಸವಾಲು.
ದಾವಣಗೆರೆ ದಕ್ಷಿಣ ಕ್ಷೇತ್ರವು ಕೈಗಾರಿಕೆ, ವ್ಯಾಪಾರ ಮತ್ತು ಕೃಷಿಯ ಸಮ್ಮಿಶ್ರಣವಾಗಿದೆ. ರಸ್ತೆಗಳು, ನೀರಾವರಿ, ಉದ್ಯೋಗ, ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳು ಜನರ ಮುಖ್ಯ ನಿರೀಕ್ಷೆಗಳು. ಹಿರಿಯ ಶಾಸಕರ ಕಾಲದಲ್ಲಿ ಕ್ಷೇತ್ರಕ್ಕೆ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದ್ದವು. ಆದರೆ ಇಂದು ಯುವಕರ ಉದ್ಯೋಗ, ಮಹಿಳೆಯರ ಸುರಕ್ಷತೆ ಮತ್ತು ಸ್ಥಳೀಯ ಸಮಸ್ಯೆಗಳು ಬಗೆಹರಿಯಬೇಕಿದೆ. ಉಪಚುನಾವಣೆಯಲ್ಲಿ ಅಭ್ಯರ್ಥಿಗಳು ಭರವಸೆಗಳ ಮಳೆ ಸುರಿಸುತ್ತಿದ್ದಾರೆ. ಆದರೆ ಜನರು ನೋಡುವುದು ಕಾರ್ಯನಿರ್ವಹಣೆಯನ್ನು. 100 ಕೋಟಿ ಅನುದಾನ ಘೋಷಣೆಯಂತಹ ಕ್ರಮಗಳು ತಾತ್ಕಾಲಿಕ ಆಕರ್ಷಣೆಯಾಗಬಹುದು, ಆದರೆ ಸುಸ್ಥಿರ ಅಭಿವೃದ್ಧಿ ಅಗತ್ಯ.
ರಾಜಕೀಯವು ಜನಸೇವೆಗಾಗಿ ಇರಬೇಕು, ಅಧಿಕಾರಕ್ಕಾಗಿ ಅಲ್ಲ ಎಂಬುದು ಎಲ್ಲರೂ ಹೇಳುವ ಮಾತು. ಆದರೆ ವಾಸ್ತವದಲ್ಲಿ ಕುಟುಂಬ ರಾಜಕಾರಣ, ಜಾತಿ-ಸಮುದಾಯ ಲೆಕ್ಕಾಚಾರಗಳು ಪ್ರಬಲವಾಗಿವೆ. ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬದ ವರ್ಚಸ್ಸು ದೀರ್ಘಕಾಲದ್ದು. ಇದು ಜನಸೇವೆಯ ಫಲವೋ ಅಥವಾ ವ್ಯವಸ್ಥೆಯ ದೌರ್ಬಲ್ಯವೋ ಎಂಬುದನ್ನು ಜನರು ನಿರ್ಧರಿಸಬೇಕು. ಬಿಜೆಪಿ “ಬದಲಾವಣೆ”ಯ ಸಂದೇಶ ನೀಡುತ್ತಿದ್ದರೂ, ಅದು ಕೇವಲ ವಿರೋಧ ಪಕ್ಷದ ಧ್ವನಿಯಾಗಿ ಉಳಿಯದೆ ಸಕಾರಾತ್ಮಕ ಪರ್ಯಾಯವಾಗಬೇಕು.
ಈ ಉಪಚುನಾವಣೆಯಲ್ಲಿ ಮತದಾರರ ಜವಾಬ್ದಾರಿ ದೊಡ್ಡದು. ಅನುಕಂಪ, ಕುಟುಂಬ ನಿಷ್ಠೆ ಅಥವಾ ಸಮುದಾಯ ಲೆಕ್ಕಾಚಾರಕ್ಕಿಂತ ಹೆಚ್ಚಾಗಿ ಅಭಿವೃದ್ಧಿ, ಪಾರದರ್ಶಕತೆ ಮತ್ತು ಜನೋಪಯೋಗಿ ಕಾರ್ಯಗಳನ್ನು ಆಧರಿಸಿ ಮತ ನೀಡಬೇಕು. ಯುವಕರು ಮತ್ತು ಮಹಿಳೆಯರು ಹೆಚ್ಚು ಸಕ್ರಿಯರಾಗಬೇಕು. ಮತದಾನ ಶೇಕಡಾ 80ಕ್ಕಿಂತ ಹೆಚ್ಚು ಆಗುವಂತೆ ಮಾಡುವುದು ಪ್ರಜಾಪ್ರಭುತ್ವದ ಆರೋಗ್ಯಕ್ಕೆ ಸೂಚಕ.
ಕರ್ನಾಟಕ ರಾಜಕೀಯದಲ್ಲಿ ಉಪಚುನಾವಣೆಗಳು ಸಣ್ಣ ಪರೀಕ್ಷೆಗಳು. ದಾವಣಗೆರೆ ದಕ್ಷಿಣದ ಫಲಿತಾಂಶವು 2028ರ ವಿಧಾನಸಭಾ ಚುನಾವಣೆಗೆ ಸಂದೇಶ ನೀಡುತ್ತದೆ. ಕಾಂಗ್ರೆಸ್ ಗೆದ್ದರೆ ಅದು ತನ್ನ ಬಲವನ್ನು ಮತ್ತಷ್ಟು ಭದ್ರಪಡಿಸಿಕೊಳ್ಳುತ್ತದೆ. ಬಿಜೆಪಿ ಗೆದ್ದರೆ ಅದು ವಿರೋಧ ಪಕ್ಷವಾಗಿ ತನ್ನ ಸಾಮರ್ಥ್ಯವನ್ನು ತೋರಿಸುತ್ತದೆ. ಆದರೆ ಗೆಲುವು ಯಾರದ್ದಾದರೂ, ಜಯಿಸುವುದು ದಾವಣಗೆರೆ ದಕ್ಷಿಣದ ಜನರೇ ಆಗಬೇಕು.
ಈ ಹೋರಾಟದಲ್ಲಿ ರಾಜಕೀಯ ಪಕ್ಷಗಳು ಜನರ ಸಮಸ್ಯೆಗಳನ್ನು ಕೇಂದ್ರದಲ್ಲಿ ಇರಿಸಿಕೊಂಡು ಪ್ರಚಾರ ಮಾಡಲಿ. ಮತದಾರರು ತಮ್ಮ ಧ್ವನಿಯನ್ನು ಸ್ಪಷ್ಟವಾಗಿ ಮತ್ತು ನಿರ್ಭಯವಾಗಿ ವ್ಯಕ್ತಪಡಿಸಲಿ. ದಾವಣಗೆರೆ ದಕ್ಷಿಣ ಉಪಚುನಾವಣೆಯು ಪ್ರಜಾಪ್ರಭುತ್ವದ ಸೌಂದರ್ಯವನ್ನು ಪ್ರದರ್ಶಿಸುವ ಅವಕಾಶವಾಗಲಿ. ಅಭಿವೃದ್ಧಿ, ಸಮಾನತೆ ಮತ್ತು ಪಾರದರ್ಶಕ ಆಡಳಿತದತ್ತ ಕ್ಷೇತ್ರ ಸಾಗಲಿ ಎಂಬುದೇ ನಮ್ಮ ಆಶಯ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ
250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು
ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ
ಬೆಂಗಳೂರು: ಮಧ್ಯಪ್ರದೇಶ ರಾಜ್ಯದ ಖಾರ್ಗೋನ್ ಜಿಲ್ಲೆಯಲ್ಲಿರುವ ನರ್ಮದಾ ನದಿ ತೀರದಲ್ಲಿ 250ಕ್ಕೂ ಹೆಚ್ಚು ಗಿಳಿಗಳು ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ ಸಾವನ್ನಪ್ಪಿರುವ ಪ್ರಕರಣ ಇಡೀ ದೇಶದಲ್ಲಿ ಇದೇ ಮೊದಲ ಬಾರಿಗೆ ನಡೆದ ದುರ್ಘಟನೆ ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ ಆತಂಕ ವ್ಯಕ್ತಪಡಿಸಿದ್ದಾರೆ.
ಕಳೆದ ಮೂರು ದಿನಗಳಲ್ಲಿ ನರ್ಮದಾ ನದಿ ತೀರದಲ್ಲಿ ಸುಮಾರು ಇನ್ನೂರಕ್ಕೂ ಅಧಿಕ ಗಿಳಿಗಳು ನಿಗೂಢವಾಗಿ ಸಾವನ್ನಪ್ಪಿದ್ದು ಆರಂಭದಲ್ಲಿ ಇದು ಹಕ್ಕಿ ಜ್ವರ ದಿಂದ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿತ್ತು ಆದರೆ ಪಶುವೈದ್ಯಕೀಯ ಅಧಿಕಾರಿ ಡಾ. ಸುರೇಶ್ ಬಫೇಲ್ ಅವರು ನೀಡಿದ ಮಾಹಿತಿ ಪ್ರಕಾರ ಹಕ್ಕಿಗಳ ಹೊಟ್ಟೆಯಲ್ಲಿ ಅಕ್ಕಿ ಕಾಳುಗಳು ಮತ್ತು ಸಣ್ಣ ಕಲ್ಲುಗಳು ಪತ್ತೆಯಾಗಿವೆ. ಅಲ್ಲದೆ ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ 200 ರಿಂದ 50 ಕ್ಕೂ ಅಧಿಕ ಮೃತಪಟ್ಟಿರುವ ಸಾಧ್ಯತೆಗಳು ಹೆಚ್ಚಿವೆ ಎಂದು ಹೇಳಿದ್ದು ಇವರ ಮಾಹಿತಿಯನ್ನು ಆದರಿಸಿ ವಿಶೇಷ ತನಿಖೆ ಮಾಡಬೇಕು ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆಗ್ರಹಿಸಿದೆ.
ಖರ್ಗೋನ್ ಜಿಲ್ಲೆಯ ಬದ್ವಾ ಪ್ರದೇಶದ ನರ್ಮದಾ ನದಿ ತೀರದಲ್ಲಿರುವ ಅಕ್ವೆಡಕ್ಟ್ ಸೇತುವೆಯ ಸಮೀಪ ಈ ಘಟನೆ ಬೆಳಕಿಗೆ ಬಂದಿದ್ದು ಅರಣ್ಯ ಇಲಾಖೆಯು ಸೇತುವೆಯ ಸುತ್ತಮುತ್ತ ಹಕ್ಕಿಗಳಿಗೆ ಆಹಾರ ನೀಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ. ಸದ್ಯ ಹಕ್ಕಿಗಳ ಸಾವಿಗೆ ನಿಖರ ಕರಣ ತಿಳಿಯಲು ಹಕ್ಕಿಗಳ ಅವಶೇಷಗಳನ್ನು ಜಬಲ್ಪುರಕ್ಕೆ ಕಳುಹಿಸಲಾಗಿದೆ. ಸದ್ಯ ಅರಣ್ಯ ಇಲಾಖೆ ಮತ್ತು ಪಶುವೈದ್ಯಕೀಯ ತಂಡಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿವೆ.
ಇನ್ನೊಂದು ಮುಖ್ಯ ವಿಚಾರ ಏನೆಂದರೆ ಪಕ್ಷಿಗಳಿಗೆ ಮನುಷ್ಯರು ಸೇವಿಸುವ ಎಣ್ಣೆ ಪದಾರ್ಥ ಅಥವಾ ಬೇಯಿಸಿದ ಆಹಾರ ನೀಡುವುದು ಅವುಗಳ ಜೀರ್ಣಾಂಗ ವ್ಯವಸ್ಥೆಯ ಮೇಲೆ ಮಾರಕ ಪರಿಣಾಮ ಬೀರುತ್ತದೆ ಎಂದು ಪಶುವೈದ್ಯಕೀಯ ಅಧಿಕಾರಿ ಡಾ. ಮನಿಷಾ ಚೌಹಾಣ್ ಹೇಳಿದ್ದಾರೆ. ಏನೇ ಆದರೂ ನೂರಾರು ಗಿಳಿಗಳು ಸಾವನ್ನಪಿರುವುದು ಮಾತ್ರ ದುರಂತ.
ಈ ಸಂದರ್ಭದಲ್ಲಿ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ, ಹಿರಿಯ ಉಪಾಧ್ಯಕ್ಷರಾದ ಗುರುರಾಜ್ ಹೂಗಾರ್, ಉಪಾಧ್ಯಕ್ಷರಾದ ಯೋಗೀಶ್ ಕುಮಾರ್, ರುದ್ರಮುನಿ, ಡಾ.ಸಿದ್ದಲಿಂಗಪ್ಪ, ಮತ್ತು ಪದಾಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

-
ದಿನದ ಸುದ್ದಿ7 days agoಎಸ್ ಎಸ್ ಎಲ್ ಸಿ ಫಲಿತಾಂಶ | ಭರತ್ ಜಿ ರಾಜ್ಯಕ್ಕೆ ಪ್ರಥಮ ; ನನ್ನ ಕ್ಷೇತ್ರದ ವಿದ್ಯಾರ್ಥಿ ಸಾಧನೆಗೆ ಸಲ್ಯೂಟ್ ಶಾಸಕ ಕೆ.ಎಸ್.ಬಸವಂತಪ್ಪ ಹರ್ಷ
-
ದಿನದ ಸುದ್ದಿ7 days agoಏ 25 ರಂದು ಅಗ್ರಿಕಲ್ಚರ್ ಪ್ರಾಕ್ಟಿಕಲ್ ಪರೀಕ್ಷೆಗೆ ಉಚಿತ ತರಬೇತಿ
-
ದಿನದ ಸುದ್ದಿ4 days agoಕ್ಷೇತ್ರ ಪುನರ್ವಿಂಗಡಣೆ ಮಸೂದೆ ; ಬಿಜೆಪಿ ಷಡ್ಯಂತ್ರ ಬಯಲು : ಕವಿತಾ ಚಂದ್ರಶೇಖರ್ ಕಿಡಿ
-
ದಿನದ ಸುದ್ದಿ4 days agoಎಸ್ಎಸ್ಎಲ್ಸಿ ಫಲಿತಾಂಶ| ಗುರುಕುಲ ಶಾಲೆಯ ವಿದ್ಯಾರ್ಥಿಗಳ ಭರ್ಜರಿ ಸಾಧನೆ; ಶೇ. 98 ಅಂಕಗಳೊಂದಿಗೆ ಮದಿಹಾ ಅಗ್ರಸ್ಥಾನ



