ಅಂತರಂಗ
ಅರಿಮೆಯ ಅರಿವಿರಲಿ-21 : ಬಿತ್ತಿದಂತೆ ಬೆಳೆ
- ಯೋಗೇಶ್ ಮಾಸ್ಟರ್
ಕೆಲವರಿಗೆ ದೇಹದಲ್ಲಿ ಯಾವುದಾದರೊಂದು ಸಮಸ್ಯೆ ಇರುತ್ತದೆ. ಹೃದಯದ್ದೋ, ಮೂತ್ರಪಿಂಡಗಳದ್ದೋ, ಕರುಳಿನದ್ದೋ, ಕಿವಿಯದೋ; ಎಂತದ್ದೋ. ಅದು ಅವರ ಯಾವ ಪಾಪಕ್ಕೂ ಅಲ್ಲ, ತಪ್ಪಿಗೂ ಅಲ್ಲ. ಮ್ಯಾನ್ಯುಫ್ಯಾಕ್ಚರಿಂಗ್ ಡಿಫೆಕ್ಟ್ ಅಂತಾರಲ್ಲಾ ಹಾಗೆ. ಪುಟ್ಟ ಪುಟ್ಟ ಮಕ್ಕಳಿಗೆ ಸಕ್ಕರೆ ಖಾಯಿಲೆ, ಹುಟ್ಟಿದ ಮಗುವಿಗೇ ಹೃದಯದ ಸಮಸ್ಯೆ; ಹೀಗೆಲ್ಲಾ ಇರುತ್ತದೆ. ಅದು ಗಮನಕ್ಕೆ ಬಂದಾಗ ತಜ್ಞರ ಬಳಿ ತೋರಿಸಿ ಅದಕ್ಕೆ ಚಿಕಿತ್ಸೆ ಕೊಡುತ್ತಾ ಅದನ್ನು ಕಡಿಮೆ ಮಾಡಿಕೊಂಡು ಬರುತ್ತೇವೆ. ಬಹಳಷ್ಟು ಬಾರಿ ಅದು ಯಶಸ್ಸನ್ನು ಕಾಣುತ್ತದೆ.
ಅದೇ ರೀತಿಯಲ್ಲಿ ಕೆಲವು ಮಾನಸಿಕ ಸಮಸ್ಯೆಗಳೂ ಕೆಲವರಿಗೆ ಮ್ಯಾನ್ಯುಫ್ಯಾಕ್ಚರಿಂಗ್ ಡಿಫೆಕ್ಟ್ ರೀತಿಯಲ್ಲಿ ಇರುತ್ತದೆ. ಆದರೆ ನಮ್ಮ ಕರ್ಮಕ್ಕೆ ಅದು ದೈಹಿಕ ಸಮಸ್ಯೆಯ ರೀತಿಯಲ್ಲಿ ಭೌತಿಕವಾಗಿ ಕಾಣುವುದಿಲ್ಲ. ಕೈಗೂಸಾಗಿದ್ದರೂ ಹೃದಯದ ಸಮಸ್ಯೆ, ಮೂತ್ರ ಪಿಂಡದ ಸಮಸ್ಯೆಗಳನ್ನು ಗುರುತಿಸಲು ಸಾಧ್ಯವಾಗುವಂತೆ ಬಹಳ ಸಣ್ಣ ಮಕ್ಕಳಲ್ಲಿ ಕೆಲವು ಬಗೆಯ ಮಾನಸಿಕ ಸಮಸ್ಯೆಗಳನ್ನು ಅರಿಮೆಗಳನ್ನು ಗುರುತಿಸಲು ಸಾಧ್ಯವಾಗುವುದಿಲ್ಲ. ಮಗುವಾಗಿ ಬೆಳೆಬೆಳೆಯುತ್ತಿದ್ದಾಗ ಕೆಲವು ಅನುಚಿತ ವರ್ತನೆಗಳನ್ನು, ಅವೈಚಾರಿಕ ನಡವಳಿಕೆಗಳನ್ನು, ಅಸಹಜ ಗುಣಗಳನ್ನು ಕಂಡರೂ ನಮ್ಮ ಧನಾತ್ಮಕ ಧೋರಣೆಯ ಕುಟುಂಬ, “ಮಗು ಬೆಳಿತಾ ಬೆಳಿತಾ ಸರಿ ಹೋಗುತ್ತದೆ” ಎಂದು ಸುಮ್ಮನಾಗುತ್ತದೆ. ತಜ್ಞರೊಂದಿಗೆ ಸಂವಹನ ಮಾಡುವುದಿಲ್ಲ. ಸಂಪರ್ಕಿಸುವುದೂ ಇಲ್ಲ. ಅದೆಲ್ಲಾ ಇರಲಿ, ಅದಕ್ಕೆಂದು ತಜ್ಞರು ಇದ್ದಾರೆಂದೂ ಗೊತ್ತಿರುವುದಿಲ್ಲ.
ಇದು ಚಿಕಿತ್ಸೆ ಕೊಡಬೇಕಾದ ರೋಗವೆಂದು ಎಂದಿಗೂ ಅಂದುಕೊಳ್ಳುವುದಿಲ್ಲ. ದೈಹಿಕ ಸಮಸ್ಯೆಗಳಿಗೆ ಗಮನ ಕೊಟ್ಟಂತೆ ಮಾನಸಿಕ ಸಮಸ್ಯೆಗಳಿಗೂ ಗಮನ ಕೊಟ್ಟಿದ್ದರೆ, ನಾವೆಲ್ಲರೂ ಇಷ್ಟುಹೊತ್ತಿಗಾಗಲೇ ಬಹಳಷ್ಟು ಆರೋಗ್ಯಕರವಾದಂತಹ ಸಮಾಜದಲ್ಲಿ ಉಸಿರಾಡಬಹುದಿತ್ತು. ಬೆಳೆಯುವ ಪೈರು ಮೊಳಕೆಯಲ್ಲಿ, ಬಿತ್ತಿದಂತೆ ಬೆಳೆ, ಗಿಡವಾಗಿ ಬಗ್ಗದ್ದು, ಮರವಾಗಿ ಬಗ್ಗೀತೇ? ಮೂರರ ಬುದ್ಧಿ ನೂರರ ತನಕ – ಈ ಗಾದೆಗಳನ್ನು ಮಾತ್ರ ಕೊಂಡಾಡುತ್ತೇವೆ ‘ವೇದ ಸುಳ್ಳಾದರೂ ಗಾದೆ ಸುಳ್ಳಾಗದು’ ಎಂದು. ಆದರೆ ಆ ಗಾದೆಗಳು ನೇರವಾಗಿ ಮಕ್ಕಳ ಮಾನಸಿಕ ಸ್ಥಿತಿಯನ್ನು ಕುರಿತೇ ಹೇಳಿರುವುದು ಎಂಬುದನ್ನು ಮಾತ್ರ ಬಹುದೊಡ್ಡ ಸಮೂಹವು ಅರ್ಥ ಮಾಡಿಕೊಳ್ಳಲೇ ಇಲ್ಲ.
ಬಿತ್ತುವುದು ಬೀಳಿಸುವುದು
ಅರಿಮೆಗಳೆಂಬ ಬೀಜಗಳನ್ನು ಎಳೆಯ ಹಾಗೂ ಫಲವತ್ತಾದ ಮನಗಳಲ್ಲಿ ಬಿತ್ತಲಾಗುತ್ತದೆ. ಅವು ಹುಲುಸಾಗಿ ಮತ್ತು ಬಲವಾಗಿ ಬೆಳೆದು ನಿಂತಾಗ ಅದನ್ನು ಕತ್ತರಿಸಿ ಹಾಕಲು ಕುಟುಂಬ ಮತ್ತು ಸಮಾಜ ಹೆಣಗಾಡುತ್ತದೆ. ಆಗ ಕಷ್ಟ ಸಾಧ್ಯ. ಯಶಸ್ಸಿನ ಗಾಥೆಗಳು ಇಲ್ಲವೇ ಇಲ್ಲವೆನಿಸುವಷ್ಟು ತೀರಾ ಕಡಿಮೆ.
ಮನೆಗಳಲ್ಲಿ, ದೊಡ್ಡ ದೊಡ್ದ ವಿದ್ಯಾವಂತರ ಮತ್ತು ಸ್ಥಿತಿವಂತರ ಮನೆಗಳಲ್ಲಿ ಕಂಡಿದ್ದೇನೆ. ಎದುರಿಗೇ ಎರಡು ಮಕ್ಕಳನ್ನು ನಿಲ್ಲಿಸಿಕೊಂಡು ಈ ಮಗು ಜಾಣ, ಎಲ್ಲದರಲ್ಲೂ ಚುರುಕು, ಮತ್ತೊಂದು ಮಗು ಅಷ್ಟು ಚುರುಕಿಲ್ಲ, ಎಲ್ಲದರಲ್ಲೂ ನಿಧಾನ; ಎನ್ನುವುದನ್ನು. ಚುರುಕಿಲ್ಲ ಎಂದು ಎಲ್ಲರ ಎದುರು ಪಟ್ಟಾಭಿಷೇಕ ಮಾಡಿಸಿಕೊಂಡು ಪದವಿ ಪಡೆಯುವ ಮಗುವು ತಾನು ಚುರುಕಿಲ್ಲದರ ಬಗ್ಗೆ ಕೀಳರಿಮೆಯಿಂದ ನರಳುವುದರ ಜೊತೆಜೊತೆಗೆ ತನ್ನ ಕಡೆಗಣಿಸಲು ಬಳಸುವ ಚುರುಕಿರುವ ಮಗುವಿನ ಬಗ್ಗೆ ದ್ವೇಷ ಮತ್ತು ಅಸೂಯೆಯನ್ನು ಬೆಳೆಸಿಕೊಳ್ಳುತ್ತದೆ. ಇದು ನಮ್ಮ ಪೋಷಕರಿಗೆ ಅರ್ಥವೇ ಆಗುವುದಿಲ್ಲ.
ಇನ್ನು ಶಾಲೆಯಲ್ಲಿ ಕೆಲವು ಮಕ್ಕಳಿಗೆ ಎ+, ಬಿ+, ರ್ಯಾಂಕ್ ಇತ್ಯಾದಿಗಳನ್ನು ನೀಡುತ್ತಾ ಮತ್ತೆ ಕೆಲವು ಮಕ್ಕಳಿಗೆ ಸಿ, ಡಿ, ಇತ್ಯಾದಿಗಳನ್ನು ಕೊಡುತ್ತಾ, ಆ ಮಕ್ಕಳಲ್ಲಿ ಕೀಳರಿಮೆಯನ್ನು ಹುಟ್ಟು ಹಾಕುವ ಶಿಕ್ಷಣ ವ್ಯವಸ್ಥೆಗೆ ಮೌಲ್ಯಮಾಪನದ ಮತ್ತೊಂದು ಪರ್ಯಾಯ ವ್ಯವಸ್ಥೆಯನ್ನು ಕಂಡುಕೊಳ್ಳಲಾಗಿಲ್ಲ. ಮಕ್ಕಳ ಎಳೆಯ ಮನಸ್ಸುಗಳಲ್ಲಿ ಅರಿಮೆಗಳನ್ನು ಬಿತ್ತುತ್ತಿದ್ದೇವೆ ಎಂಬ ನೈತಿಕ ಪ್ರಜ್ಞೆ ಅವರಲ್ಲಿ ಮೂಡಿಯೇ ಇಲ್ಲ. ಏಕೆಂದರೆ ಮಾನಸಿಕವಾದಂತಹ ವಿಷಯಕ್ಕೆ ಅವರು ‘ಕೇರ್’ ಮಾಡಿಯೇ ಇಲ್ಲ.
ಸ್ಪರ್ಧೆಗಳನ್ನು ಮಾಡಿ ಗೆದ್ದವರಿಗೆ ಪರಾಕುಗಳನ್ನು ಹಾಕುವಾಗ, ಫಲಕ, ಪದಕ ಮತ್ತು ಇನಾಮುಗಳನ್ನು ಕೊಟ್ಟು ಹೆಸರುಗಳನ್ನು ಕೂಗಿ ಕರೆಯುವಾಗ ಸೋತವರು ಎಂಬ ಭಾವವನ್ನು ಹುಟ್ಟಿಸಿ ಹಲವು ಜೀವಗಳಲ್ಲಿ ಕೀಳರಿಮೆಯನ್ನು ಹುಟ್ಟಿ ಹಾಕುತ್ತಿದ್ದೇವೆ ಎಂಬ ಪ್ರಜ್ಞೆ ಸ್ಪರ್ಧಾತ್ಮಕ ಸಮಾಜಕ್ಕೆ ಬಂದೇ ಇಲ್ಲ. ಇದನ್ನೆಲ್ಲಾ ಸ್ಪೋರ್ಟೀವ್ ಆಗಿ ತಗೋಬೇಕು. ಗೆಲ್ಲುವುದಕ್ಕಿಂತ ಭಾಗವಹಿಸುವುದು ಮುಖ್ಯ ಇತ್ಯಾದಿ ತಿಪ್ಪೆ ಸಾರಿಸುವ ಮಾತುಗಳಿಂದ ಅರಿಮೆಗಳು ಉಂಟಾಗುವುದನ್ನು ತಡೆಯಲು ಸಾಧ್ಯವಿಲ್ಲ. ಸೋತವರ ನೋವು ಅವರ ಮನಸ್ಸಿನಲ್ಲಿ ಅದೆಷ್ಟು ಹಿಂಡಿ ಹಿಪ್ಪೆ ಮಾಡುತ್ತದೆ ಎಂದರೆ, ಅವರು ಪ್ರತಿಕಾರಕ್ಕೆ, ಹಟಕ್ಕೆ ಏನಾದರೂ ಮಾಡಬಹುದು. ಮಾಡಲಾಗದ ಕಾರಣಕ್ಕೆ ಆ ಆಕ್ರೋಶವನ್ನು ಅದುಮಿಟ್ಟುಕೊಳ್ಳುತ್ತಾರೆ. ಇಂತಹ ಅದುಮಿಟ್ಟುಕೊಳ್ಳುವ ಎಲ್ಲಾ ಭಾವಗಳೂ ಮನೋರೋಗದ ಮೂಲಗಳೇ.
ಮಕ್ಕಳನ್ನು ಗಮನಿಸಿ, ಸಾಧಾರಣ ಆಟಗಳಲ್ಲಿ, ಆಡುವಾಗ ಸೋಲಬಾರದು, ಸೋತರೆ ಅಳುತ್ತಾರೆ. ಆಟವನ್ನು ಕೆಡಿಸುತ್ತಾರೆ. ಕೂಗಾಡುತ್ತಾರೆ. ಏಕೆ? ಅವರಿಗೆ ತಾವು ಸೋತ ನೋವಿಗಿಂತ ಎದುರಾಳಿಯ ಗೆದ್ದ ದರ್ಪದ ದೌರ್ಜನ್ಯವನ್ನು ಸಹಿಸಲಾಗುವುದಿಲ್ಲ. ಗೆದ್ದವನಿಗೇ ಮಾನ್ಯತೆ. ಇಂತಹ ಅರಿಮೆಯನ್ನು ಬಿತ್ತುವ ವಿಚಾರಗಳಲ್ಲಿ ನಮ್ಮ ಸಮಾಜಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದೆ. ಇದುವರೆಗೂ ಯಾವ ಜೀವಿಗಳ ಮನಸ್ಸುಗಳಿಗೂ ನೋವಾಗದ ಹಾಗೆ ನಡೆದುಕೊಳ್ಳುವಂತಹ ವ್ಯವಸ್ಥೆಯನ್ನು ಇನ್ನೂ ಕಂಡುಕೊಂಡಿಲ್ಲ. ಅಂತರವನ್ನು ಹೆಚ್ಚು ಮಾಡುವ, ಅರಿಮೆಯನ್ನು ಗಟ್ಟಿಗೊಳಿಸುವ ಸ್ಪರ್ಧೆಗಳಿಗೆ ಮತ್ತಷ್ಟು ಮಗದಷ್ಟು ಹೊಸಹೊಸ ವ್ಯಾಖ್ಯಾನಗಳು ಸಿಗುತ್ತಿವೆ. ವೈಭವಗೊಳ್ಳುತ್ತಿವೆ.
ಅದೆಷ್ಟೋ ವರ್ಷಗಳಿಂದ ಅದೆಷ್ಟು ಮಾರುಗಳ ಉಗುರುಗಳನ್ನು ಬೆಳೆಸಿಕೊಂಡು ಗಿನ್ನಿಸ್ ರೆಕಾರ್ಡ್ ಮಾಡುವವರು, ತಲೆಯಿಂದ ಅದೆಷ್ಟೋ ನೂರು ತೆಂಗಿನ ಕಾಯಿಗಳನ್ನು ಹೊಡೆದು ಚೂರು ಮಾಡಿ ಲಿಮ್ಕಾ ದಾಖಲೆ ಮಾಡುವವರು, ಇನ್ನೆಂತದ್ದೋ ಯಾರೂ ಮಾಡದೇ ಇರುವುದನ್ನು ತಾನು ಮಾಡಿ ರೆಕಾರ್ಡ್ ಮಾಡುವವರು ಕೀಳರಿಮೆಯ ವ್ಯಕ್ತಿಗಳೇ. ಯಾವುದೇ ದಾಖಲೆ ಮಾಡುವ ಹೆಚ್ಚುಗಾರಿಕೆಯು ಖಂಡಿತ ಆರೋಗ್ಯಕರ ಮನಸ್ಥಿತಿಯ ಲಕ್ಷಣವಂತೂ ಅಲ್ಲ.
ಗಾಯಕಿ ಲತಾ ಮಂಗೇಶ್ಕರ್ ತಮ್ಮ ಪ್ರತಿಭೆಗೆ ಅನುಸಾರವಾಗಿ ಅವಕಾಶಗಳು ಸಿಗುತ್ತಾ ಹಾಡಿಕೊಂಡು ಹೋದರು. ಸಾವಿರಾರು ಹಾಡುಗಳಾಗಿ ದಾಖಲೆಯಾಯಿತೆಂದರೆ ಅದು ಈ ಮಾನಸಿಕ ಸಮಸ್ಯೆಯ ವಿಭಾಗಕ್ಕೆ ಬರುವುದಿಲ್ಲ. ಆದರೆ ದಾಖಲೆಗೊಸ್ಕರವೇ ಹಪಹಪಿಸಿಕೊಂಡು ಮಾಡುವುದರ ಬಗ್ಗೆ ನಮಗೆ ಕಾಳಜಿ ಮತ್ತು ಅದಕ್ಕೆ ಚಿಕಿತ್ಸೆ ಬೇಸಾಮಾನ್ಯವಾಗಿ ಮಕ್ಕಳು ಒಂದಲ್ಲ ಒಂದು ಕೊರತೆಯನ್ನು ಹೊಂದಿರುತ್ತಾರೆ. ಒಂದಲ್ಲ ಒಂದು ವಿಷಯದಲ್ಲಿ ದುರ್ಬಲರಾಗಿರುತ್ತಾರೆ. ಯಾವುದೇ ಮಗುವನ್ನು ನೋಡಿ, ಅವರು ಆಸೆ ಪಡುವುದು, ತಾನು ಬೆಳೆದು ದೊಡ್ಡವರಾದಾಗ ಅದು ಮಾಡುತ್ತೇನೆ, ಇದು ಮಾಡುತ್ತೇನೆ, ಇದನ್ನು ಕಟ್ಟಿಸುತ್ತೇನೆ; ಇತ್ಯಾದಿ. ಯಾವ ಮಕ್ಕಳು ತಾವು ದೊಡ್ಡವರಾದಾಗ ಎಂದು ತಮ್ಮ ಕನಸುಗಳನ್ನು ಹೇಳುತ್ತಿರುತ್ತಾರೋ ಬಹುಪಾಲು ಕೀಳರಿಮೆಗೆ ಕಾರಣವಾಗಿರುವ ಸಂಗತಿಗಳನ್ನು ಅವರು ಎದುರಿಸಿದ್ದಾರೆ ಎಂದರ್ಥ. ಆ ಮಗು, ತಾನಿರುವ ಸ್ಥಿತಿಯನ್ನು ಸಂಪೂರ್ಣವಾಗಿ ಸಂತೋಷವಾಗಿ ಅನುಭವಿಸಲು ಅಲ್ಲಿ ಸರಿಯಾದ ಪ್ರೇರಣೆಗಳು ಮತ್ತು ಅವಕಾಶಗಳು ಸಿಗುತ್ತಿಲ್ಲ ಎಂದರ್ಥ.
ಸಾಮಾನ್ಯವಾಗಿ ಮಕ್ಕಳಲ್ಲೇನು ದೊಡ್ಡವರಲ್ಲಿಯೂ ಕೂಡಾ ನಮಗಿಂತ ಅವರು ಸಂತೋಷವಾಗಿದ್ದಾರೆ, ಸುಖವಾಗಿದ್ದಾರೆ, ಉತ್ತಮ ಜೀವನ ನಡೆಸುತ್ತಿದ್ದಾರೆ ಎಂಬ ಆಲೋಚನೆಗಳಿರುತ್ತವೆ. ಆ ಗಂಡ ಹೆಂಡತಿಯರು ನಮಗಿಂತ ಸುಖವಾಗಿದ್ದಾರೆ, ಅವನ ಅಪ್ಪ ಅಮ್ಮ ನಮ್ಮಪ್ಪ ಅಮ್ಮನಿಗಿಂತ ಹೆಚ್ಚು ಶಾಪಿಂಗ್ ಗೆ ಕರೆದುಕೊಂಡು ಹೋಗುತ್ತಾರೆ. ನಮ್ಮ ಮನೆಗಿಂತ ಅವರ ಮನೆಯಲ್ಲಿ ಹೆಚ್ಚು ಶ್ರೀಮಂತಿಕೆ ಇದೆ. ನನಗಿಂತ ಒಳ್ಳೆಯ ಮೈ ಅವನಿಗಿದೆ. ನನಗಿಂತ ಅವಳು ಚೆನ್ನಾಗಿದ್ದಾಳೆ. ನಿಜ; ಅದು ವಾಸ್ತವವೇ ಇರಬಹುದು. ಆದರೆ ಅದು ಆಯಾ ವ್ಯಕ್ತಿಗಳ ಅರಿಮೆಗೆ ಎಟಕುವ ಆಲೋಚನೆಗಳು. ಅರಿಮೆಗಳಿಲ್ಲದ ಆಲೋಚನೆಗಳು ಬರಿದೇ ಗುರುತಿಸುತ್ತವೆ. ಅದರ ಬಗ್ಗೆ ಆಲೋಚಿಸುವುದಿಲ್ಲ. ಕರುಬುವುದಿಲ್ಲ. ಕೀಳರಿಮೆಯುಳ್ಳವರಿಗೆ ಅಸೂಯೆ ಬಹಳ ಸಹಜವಾದಂತಹ ಗುಣ.
ದಪ್ಪ, ಕೊಯಕಲ, ಉಬ್ಬ, ಕರಿಯ ಇತ್ಯಾದಿಗಳ ರೂಢನಾಮದಲ್ಲಿ ಬೆಳೆಯುವ ಮಕ್ಕಳಿಗೆ ಸಂಕೋಚ ಸಹಜವಾಗುತ್ತದೆ. ತನ್ನ ದೇಹವು ವಿರೂಪವಾಗಿದೆ. ಈ ಕುರೂಪವನ್ನು ಕಂಡು ನಗುವವರಿದ್ದಾರೆ ಎಂಬ ಭಾವ ಅವರನ್ನು ಕುಬ್ಜಗೊಳಿಸುತ್ತದೆ. ಕೀಳರಿಮೆಯನ್ನು ಬುಡಸಮೇತ ಕೀಳು ಸರಿ, ಈ ಕೀಳರಿಮೆಯನ್ನು ಹೋಗಲಾಡಿಸುವ ಬಗೆ ಹೇಗೆ? ಹುಟ್ಟು ಹಾಕದೇ ಇರುವ ಬಗೆಯಾದರೆ, ಅದು ಸುಲಭ. ಈ ರೀತಿಯ ಅನವಶ್ಯಕ, ಅಮಾನವೀಯ ಮತ್ತು ವಿಧ್ವಂಸಕ ದೃಷ್ಟಿಯನ್ನು ಹೊಂದದೇ ಇರುವುದು. ಆ ರೀತಿಯ ಮಾತುಗಳನ್ನು ಆಡದೇ ಇರುವುದು. ಎಲ್ಲರನ್ನೂ ಎಲ್ಲವನ್ನೂ ಸಹಜವಾಗಿ ನೋಡುತ್ತಾ ವ್ಯಕ್ತಿಗೌರವವನ್ನು ಪರಸ್ಪರ ಕೊಟ್ಟುಕೊಳುವುದು.
ಆದರೆ, ಈಗಾಗಲೇ ಇರುವ ಕೀಳರಿಮೆಯನ್ನು ಹೋಗಲಾಡಿಸುವುದು ಹೇಗೆಂದರೆ ಅದು ಕಷ್ಟ. ಈಗಾಗಲೇ ಬೇರುಬಿಟ್ಟಿರುವಂತಹ ಮನೋಭಾವವನ್ನು ಗುರುತಿಸಿಕೊಳ್ಳಬೇಕು. ಅದು ಇದೆ ಎಂಬುದನ್ನು ಒಪ್ಪಿಕೊಳ್ಳಬೇಕು. ನಂತರ ಪ್ರತಿಯೊಂದು ಹೆಜ್ಜೆ ಹೆಜ್ಜೆಗೂ ತನಗೆ ಅರಿಮೆ ಇರುವುದರ ಅರಿವಿನಲ್ಲಿ ತನ್ನನ್ನೇ ತಾನು ಎಚ್ಚರಿಕೆಯಿಂದ ಗಮನಿಸಿಕೊಳ್ಳಬೇಕು. ಎಲ್ಲದಕ್ಕಿಂತ ಮುಖ್ಯವಾಗಿ ತಾನು ತನ್ನ ಹಿರಿಮೆಯನ್ನು ಸಾಬೀತುಗೊಳಿಸಿಕೊಳ್ಳುವ ಕಾರಣವೇನೂ ಇಲ್ಲ, ನನಗೆ ಇರುವಂತಹ ಮೌಲ್ಯ ನನಗಿದೆ ಎಂಬ ಭಾವದಲ್ಲಿ ಆತ್ಮತೃಪ್ತಿಯಿಂದ ತನ್ನನ್ನು ತಾನು ಸಂತೋಷಗೊಳಿಸಿಕೊಳ್ಳಲು ಸಾಧ್ಯತೆಗಳನ್ನು ಕಂಡುಕೊಳ್ಳುವುದು. ಅರಿವೇ ಅರಿಮೆಯನ್ನು ಅಡಗಿಸಲು ಸಾಧ್ಯ.
(ಮುಂದುವರಿಯುವುದು)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ
ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ ಕಂಠಸಿರಿಯಿಂದ ಆರು ದಶಕಗಳಿಗೂ ಹೆಚ್ಚು ಕಾಲ ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯವನ್ನು ಗೆದ್ದಿದ್ದ ಈ ಮಹಾನ್ ಹಿನ್ನೆಲೆ ಗಾಯಕಿ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನವು ಕೇವಲ ಒಬ್ಬ ಗಾಯಕಿಯ ಅಗಲಿಕೆಯಲ್ಲ; ಭಾರತೀಯ ಸಂಗೀತ ಪರಂಪರೆಯ ಒಂದು ಮಹತ್ತರ ಯುಗದ ಅಂತ್ಯವಾಗಿದೆ.
ಸಂಗೀತವು ಭಾಷೆಯ ಎಲ್ಲೆಗಳನ್ನು ಮೀರಿ ಹೃದಯವನ್ನು ತಲುಪುವ ಮಾಧ್ಯಮ. ಆ ಸತ್ಯವನ್ನು ತಮ್ಮ ಗಾಯನದ ಮೂಲಕ ಸಾಬೀತುಪಡಿಸಿದ ಕಲಾವಿದೆ ಎಸ್. ಜಾನಕಿ. ಅವರು ಹಾಡಿದ ಸಾವಿರಾರು ಗೀತೆಗಳು ಇಂದಿಗೂ ಪ್ರೀತಿ, ವಿರಹ, ಭಕ್ತಿ, ಮಾತೃತ್ವ, ಸಂತೋಷ ಮತ್ತು ಬದುಕಿನ ಸೂಕ್ಷ್ಮ ಭಾವನೆಗಳಿಗೆ ಧ್ವನಿಯಾಗಿವೆ. ಅವರ ಕಂಠ ಕೇಳಿದ ಕ್ಷಣವೇ ಹಾಡಿನ ಪಾತ್ರ ಜೀವಂತವಾಗಿ ಕಣ್ಣೆದುರು ಮೂಡುತ್ತಿತ್ತು. ಅದೇ ಅವರ ಗಾಯನದ ಮಹತ್ವ.
ಸಾಮಾನ್ಯ ಕುಟುಂಬದಿಂದ ಸಂಗೀತ ಸಾಮ್ರಾಜ್ಯದವರೆಗೆ
1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ಸಮೀಪ ಜನಿಸಿದ ಜಾನಕಿ, ಬಾಲ್ಯದಿಂದಲೇ ಸಂಗೀತದತ್ತ ಅತೀವ ಆಸಕ್ತಿ ಹೊಂದಿದ್ದರು. ಮನೆಯಲ್ಲಿದ್ದ ಸಂಗೀತದ ವಾತಾವರಣವೇ ಅವರ ಪ್ರತಿಭೆಗೆ ಮೊದಲ ಪ್ರೇರಣೆ. ಸಂಪ್ರದಾಯಬದ್ಧ ಸಂಗೀತ ಶಿಕ್ಷಣ ಸೀಮಿತವಾಗಿದ್ದರೂ, ದೇವರು ನೀಡಿದ ಸಹಜ ಕಂಠವೇ ಅವರನ್ನು ಅಪರೂಪದ ಗಾಯಕಿಯನ್ನಾಗಿ ರೂಪಿಸಿತು.
ಕುಟುಂಬದ ಬೆಂಬಲದೊಂದಿಗೆ ಅವರು ಆಗಿನ ಮದ್ರಾಸಿಗೆ ತೆರಳಿ ಹಿನ್ನೆಲೆ ಗಾಯನದಲ್ಲಿ ಅವಕಾಶ ಹುಡುಕಿದರು. ಆರಂಭದ ದಿನಗಳು ಸುಲಭವಾಗಿರಲಿಲ್ಲ. ಆದರೆ ಪ್ರತಿಭೆ, ಶ್ರಮ ಮತ್ತು ಸಂಗೀತದ ಮೇಲಿನ ಅಚಲ ನಿಷ್ಠೆ ಅವರನ್ನು ಬೇಗನೇ ಸಂಗೀತ ನಿರ್ದೇಶಕರ ಗಮನಕ್ಕೆ ತಂದಿತು. 1957ರಲ್ಲಿ ಆರಂಭವಾದ ಅವರ ಗಾಯನಯಾನ, ನಂತರ ಭಾರತದ ಸಂಗೀತ ಇತಿಹಾಸದಲ್ಲೇ ಅತ್ಯಂತ ದೀರ್ಘ ಹಾಗೂ ಯಶಸ್ವಿ ಪಯಣಗಳಲ್ಲಿ ಒಂದಾಗಿ ಬೆಳೆಯಿತು.
ಭಾಷೆಗಳ ಗಡಿಗಳನ್ನು ಮೀರಿ ಮೊಳಗಿದ ಧ್ವನಿ
ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ, ಒಡಿಯಾ, ತುಳು, ಕೊಂಕಣಿ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ಅವರು ಸಾವಿರಾರು ಹಾಡುಗಳನ್ನು ಹಾಡಿದರು. ವಿವಿಧ ಮೂಲಗಳ ಪ್ರಕಾರ ಅವರು 40 ಸಾವಿರಕ್ಕೂ ಅಧಿಕ ಗೀತೆಗಳಿಗೆ ಧ್ವನಿಯಾಗಿದ್ದಾರೆ.
ಪ್ರತಿ ಭಾಷೆಯ ಉಚ್ಚಾರಣೆಯನ್ನು ಅತ್ಯಂತ ಶ್ರದ್ಧೆಯಿಂದ ಕಲಿತು, ಆ ಭಾಷೆಯವರೇ ಹಾಡಿದಂತೆ ಹಾಡುವುದು ಅವರ ವಿಶೇಷತೆ. ಅದಕ್ಕಾಗಿಯೇ ಅವರು ಹಾಡಿದ ಗೀತೆಗಳನ್ನು ಯಾವ ರಾಜ್ಯದ ಜನರೂ ತಮ್ಮದೇ ಭಾಷೆಯ ಹಾಡುಗಳೆಂದು ಪ್ರೀತಿಸಿದರು. ಒಬ್ಬ ಗಾಯಕಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ.
ಕನ್ನಡಿಗರ ಮನದ ಜಾನಕಿ
ಕರ್ನಾಟಕದ ಸಂಗೀತಾಸಕ್ತರಿಗೆ ಎಸ್. ಜಾನಕಿ ಎಂದರೆ ವಿಶೇಷವಾದ ಭಾವನಾತ್ಮಕ ಬಂಧ. ಕನ್ನಡ ಚಿತ್ರರಂಗದ ಸುವರ್ಣಯುಗದ ನೂರಾರು ಅಮರಗೀತೆಗಳಿಗೆ ಅವರು ಜೀವ ತುಂಬಿದ್ದಾರೆ.
ಡಾ. ರಾಜ್ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್, ಅನಂತ್ ನಾಗ್, ರಮೇಶ್ ಅರವಿಂದ್ ಸೇರಿದಂತೆ ಹಲವು ತಲೆಮಾರಿನ ನಟ–ನಟಿಯರ ಭಾವನೆಗಳಿಗೆ ಅವರ ಧ್ವನಿಯೇ ಆತ್ಮವಾಗಿತ್ತು.
ವಿಜಯಭಾಸ್ಕರ್, ಜಿ.ಕೆ. ವೆಂಕಟೇಶ್, ರಾಜನ್–ನಾಗೇಂದ್ರ, ಉಪೇಂದ್ರ ಕುಮಾರ್, ಹಂಸಲೇಖ ಸೇರಿದಂತೆ ಕನ್ನಡದ ಶ್ರೇಷ್ಠ ಸಂಗೀತ ನಿರ್ದೇಶಕರೊಂದಿಗೆ ಅವರು ನೀಡಿದ ಹಾಡುಗಳು ಇಂದಿಗೂ ಸಂಗೀತಾಸಕ್ತರ ತುಟಿಗಳಲ್ಲಿ ಜೀವಂತವಾಗಿವೆ.
ಪ್ರೇಮಗೀತೆಗಳಾಗಲಿ, ಭಕ್ತಿಗೀತೆಗಳಾಗಲಿ, ಜಾನಪದ ಸೊಗಡಿನ ಹಾಡುಗಳಾಗಲಿ ಅಥವಾ ವಿರಹದ ಮೌನವನ್ನು ಹೇಳುವ ಮಧುರಗೀತೆಗಳಾಗಲಿ—ಜಾನಕಿ ಅವರ ಧ್ವನಿ ಪ್ರತಿಯೊಂದು ಭಾವಕ್ಕೂ ಹೊಸ ಅರ್ಥ ನೀಡುತ್ತಿತ್ತು.
ಇಳಯರಾಜಾ–ಜಾನಕಿ: ಸಂಗೀತದ ಅದ್ಭುತ ಜೋಡಿ
ತಮಿಳು ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕ ಇಳಯರಾಜಾ ಮತ್ತು ಎಸ್. ಜಾನಕಿ ಅವರ ಸಂಗಮ ಭಾರತೀಯ ಚಿತ್ರಸಂಗೀತದ ಅತ್ಯಂತ ಯಶಸ್ವಿ ಜೋಡಿಗಳಲ್ಲಿ ಒಂದು.
ಇಳಯರಾಜಾ ಅವರ ಸಂಗೀತದ ಸೂಕ್ಷ್ಮ ಭಾವಗಳನ್ನು ಜಾನಕಿ ತಮ್ಮ ಧ್ವನಿಯಲ್ಲಿ ಜೀವಂತಗೊಳಿಸುತ್ತಿದ್ದರು. ಈ ಜೋಡಿಯ ಅನೇಕ ಗೀತೆಗಳು ಇಂದಿಗೂ ದಕ್ಷಿಣ ಭಾರತದ ಸಂಗೀತಾಭಿಮಾನಿಗಳ ನಿತ್ಯ ಸಂಗಾತಿಗಳಾಗಿವೆ.
ಅದೇ ರೀತಿ ಎಂ.ಎಸ್. ವಿಶ್ವನಾಥನ್, ಕೆ.ವಿ. ಮಹಾದೇವನ್, ಚಕ್ರವರ್ತಿ, ಹಂಸಲೇಖ, ರಾಜನ್–ನಾಗೇಂದ್ರ, ವಿಜಯಭಾಸ್ಕರ್ ಮೊದಲಾದ ದಿಗ್ಗಜರ ಸಂಗೀತಕ್ಕೂ ಅವರು ವಿಶಿಷ್ಟ ಕಂಠಸಿರಿ ನೀಡಿದ್ದಾರೆ.
ಧ್ವನಿಯೊಳಗಿದ್ದ ಸಾವಿರ ರೂಪಗಳು
ಎಸ್. ಜಾನಕಿ ಅವರ ಗಾಯನದ ಅತ್ಯಂತ ದೊಡ್ಡ ವೈಶಿಷ್ಟ್ಯವೆಂದರೆ ಧ್ವನಿಯ ರೂಪಾಂತರ. ಒಂದು ಹಾಡಿನಲ್ಲಿ ಮಗು ಮಾತನಾಡಿದಂತೆ ಹಾಡಬಲ್ಲರು; ಮತ್ತೊಂದು ಹಾಡಿನಲ್ಲಿ ವಯಸ್ಸಾದ ಮಹಿಳೆಯ ಭಾವನೆ ಮೂಡಿಸುತ್ತಿದ್ದರು. ಕೆಲವೊಮ್ಮೆ ಗ್ರಾಮೀಣ ಹುಡುಗಿಯ ಮುಗ್ಧತೆ, ಮತ್ತೊಮ್ಮೆ ನಗರ ಮಹಿಳೆಯ ಆತ್ಮವಿಶ್ವಾಸ, ಇನ್ನೊಮ್ಮೆ ತಾಯಿಯ ಮಮತೆ, ಮತ್ತೆ ಭಕ್ತೆಯ ಪ್ರಾರ್ಥನೆ—ಪ್ರತಿ ಭಾವಕ್ಕೂ ಬೇರೆ ಧ್ವನಿಯನ್ನು ನೀಡುವ ಸಾಮರ್ಥ್ಯ ಅವರಿಗೆ ಮಾತ್ರ ಸಾಧ್ಯವಾಗಿತ್ತು. ಅವರ ಧ್ವನಿ ಕೇವಲ ಸಂಗೀತವಲ್ಲ; ಅದು ಅಭಿನಯವೂ ಆಗಿತ್ತು.
ಶ್ರಮ, ಶಿಸ್ತು ಮತ್ತು ಪರಿಪೂರ್ಣತೆಯ ಪ್ರತೀಕ
ಒಂದು ಹಾಡನ್ನು ಹಾಡುವ ಮೊದಲು ಅದರ ಸಾಹಿತ್ಯವನ್ನು ಸಂಪೂರ್ಣ ಅರ್ಥೈಸಿಕೊಳ್ಳುವುದು ಅವರ ಅಭ್ಯಾಸ. ಉಚ್ಚಾರಣೆಯಲ್ಲಿ ಯಾವುದೇ ತಪ್ಪು ಆಗಬಾರದು ಎಂಬ ಕಾರಣಕ್ಕೆ ಹೊಸ ಭಾಷೆಗಳನ್ನು ಸಹ ಕಲಿಯುತ್ತಿದ್ದರು.
ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಸಮಯಪಾಲನೆ, ಶಿಸ್ತು ಹಾಗೂ ಸಂಗೀತದ ಮೇಲಿನ ಅಪಾರ ಗೌರವದಿಂದ ಅವರು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.
ಸಂಗೀತ ನಿರ್ದೇಶಕರು ಅನೇಕ ಬಾರಿ ಹೇಳಿದ್ದೇನಂದರೆ, ಜಾನಕಿ ಹಾಡನ್ನು ಒಮ್ಮೆ ಅರ್ಥ ಮಾಡಿಕೊಂಡರೆ ಅದನ್ನು ಮತ್ತೆ ವಿವರಿಸುವ ಅಗತ್ಯವೇ ಇರಲಿಲ್ಲ.
ಪ್ರಶಸ್ತಿಗಳಿಗಿಂತ ದೊಡ್ಡದು ಜನರ ಪ್ರೀತಿ
ಎಸ್. ಜಾನಕಿ ಅವರು ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ವಿವಿಧ ರಾಜ್ಯ ಸರ್ಕಾರಗಳಿಂದ ಮೂವತ್ತಕ್ಕೂ ಅಧಿಕ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿಗಳು ಅವರಿಗೆ ಸಂದಿವೆ. ಆದರೆ ಅವರು ಎಂದಿಗೂ ಪ್ರಶಸ್ತಿಗಳಿಗಾಗಿ ಹಾಡಲಿಲ್ಲ. ಸಂಗೀತವೇ ಅವರ ಧ್ಯಾನ, ಗಾಯನವೇ ಅವರ ಪೂಜೆ.
ಪದ್ಮಭೂಷಣ ಪ್ರಶಸ್ತಿಯನ್ನು ಅವರು ವಿನಯಪೂರ್ವಕವಾಗಿ ನಿರಾಕರಿಸಿದ್ದು ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು. ತಮ್ಮ ಸಾಧನೆಗೆ ತಡವಾಗಿ ಗೌರವ ನೀಡಲಾಗಿದೆ ಎಂಬ ಭಾವನೆಯನ್ನು ಅವರು ಅತ್ಯಂತ ಗೌರವಯುತವಾಗಿ ವ್ಯಕ್ತಪಡಿಸಿದ್ದರು.
ಎಸ್.ಪಿ.ಬಿ.–ಜಾನಕಿ: ಮರೆಯಲಾಗದ ಸಂಗೀತಯಾನ
ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಎಸ್. ಜಾನಕಿ ಅವರ ಜೋಡಿ ಭಾರತೀಯ ಚಿತ್ರಸಂಗೀತದ ಅತ್ಯಂತ ಜನಪ್ರಿಯ ಗಾಯನ ಜೋಡಿಗಳಲ್ಲಿ ಒಂದು.
ಅವರಿಬ್ಬರು ಹಾಡಿದ ಸಾವಿರಾರು ಯುಗಲಗೀತೆಗಳು ಇಂದಿಗೂ ರೇಡಿಯೋಗಳಲ್ಲಿ, ಸಂಗೀತ ಕಾರ್ಯಕ್ರಮಗಳಲ್ಲಿ ಮತ್ತು ಅಭಿಮಾನಿಗಳ ನೆನಪುಗಳಲ್ಲಿ ಸದಾ ಕೇಳಿಸುತ್ತಿವೆ.ಇವರ ಗಾಯನದಲ್ಲಿ ಸ್ಪರ್ಧೆಯಿರಲಿಲ್ಲ; ಪರಸ್ಪರ ಪೂರಕವಾದ ಸಂಗೀತ ಮಾತ್ರ ಇತ್ತು.
ಸರಳತೆಯೇ ಅವರ ಅಲಂಕಾರ
ಅಸಂಖ್ಯಾತ ಪ್ರಶಸ್ತಿಗಳು, ಲಕ್ಷಾಂತರ ಅಭಿಮಾನಿಗಳು, ದೇಶವ್ಯಾಪಿ ಖ್ಯಾತಿ—ಇವೆಲ್ಲ ಇದ್ದರೂ ಎಸ್. ಜಾನಕಿ ಅತ್ಯಂತ ಸರಳ ಜೀವನ ನಡೆಸಿದರು.ವೇದಿಕೆಯಲ್ಲಿ ಎಂದಿಗೂ ಆಡಂಬರ ತೋರಲಿಲ್ಲ. ಸಂದರ್ಶನಗಳಲ್ಲಿಯೂ ತಮ್ಮ ಸಾಧನೆಗಿಂತ ಸಂಗೀತದ ಮಹತ್ವದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರು.ಹೊಸ ಗಾಯಕರಿಗೆ ಪ್ರೋತ್ಸಾಹ ನೀಡುವುದು, ಅವರನ್ನು ಮೆಚ್ಚುವುದು ಮತ್ತು ಸಂಗೀತವನ್ನು ಗೌರವಿಸುವಂತೆ ಸಲಹೆ ನೀಡುವುದು ಅವರ ಸ್ವಭಾವವಾಗಿತ್ತು.
ಹೊಸ ತಲೆಮಾರಿನಲ್ಲೂ ಜೀವಂತ ಧ್ವನಿ
ಡಿಜಿಟಲ್ ಸಂಗೀತದ ಯುಗದಲ್ಲಿಯೂ ಎಸ್. ಜಾನಕಿ ಅವರ ಹಾಡುಗಳ ಜನಪ್ರಿಯತೆ ಕಡಿಮೆಯಾಗಲಿಲ್ಲ. ಯೂಟ್ಯೂಬ್, ಸಂಗೀತ ಆ್ಯಪ್ಗಳು, ರಿಯಾಲಿಟಿ ಶೋಗಳು, ಸಾಮಾಜಿಕ ಜಾಲತಾಣಗಳು—ಎಲ್ಲೆಡೆ ಅವರ ಹಾಡುಗಳು ಹೊಸ ತಲೆಮಾರಿನ ಕಿವಿಗಳಿಗೆ ತಲುಪುತ್ತಲೇ ಇವೆ. ಇಂದಿನ ಅನೇಕ ಯುವ ಗಾಯಕ–ಗಾಯಕಿಯರು ತಮ್ಮ ಸಂಗೀತಯಾನದ ಪ್ರೇರಣೆಯಾಗಿ ಜಾನಕಿ ಅವರನ್ನು ಉಲ್ಲೇಖಿಸುತ್ತಾರೆ.
ಸಂಗೀತ ಲೋಕದ ಕಂಬನಿ
ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ದೇಶದಾದ್ಯಂತ ಸಂಗೀತ ಲೋಕದಲ್ಲಿ ಶೋಕದ ಛಾಯೆ ಆವರಿಸಿತು. ಚಿತ್ರರಂಗದ ಗಣ್ಯರು, ಸಂಗೀತ ನಿರ್ದೇಶಕರು, ಗಾಯಕ–ಗಾಯಕಿಯರು, ಸಾಹಿತ್ಯಿಕರು, ರಾಜಕೀಯ ನಾಯಕರು ಹಾಗೂ ಲಕ್ಷಾಂತರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಭಾವಪೂರ್ಣ ನಮನ ಸಲ್ಲಿಸಿದರು.
“ಒಂದು ಯುಗ ಮುಗಿಯಿತು”, “ಗಾನಕೋಗಿಲೆಯ ಧ್ವನಿ ಎಂದೆಂದಿಗೂ ಜೀವಂತ”, “ನಮ್ಮ ಜೀವನದ ನೆನಪುಗಳಿಗೆ ಹಿನ್ನೆಲೆ ಸಂಗೀತ ನೀಡಿದ ಧ್ವನಿ” ಎಂಬ ಮಾತುಗಳು ಎಲ್ಲೆಡೆ ಕೇಳಿಬಂದವು.
ಕನ್ನಡಿಗರ ನೆನಪಿನಲ್ಲಿ ಎಂದೆಂದಿಗೂ
ಕರ್ನಾಟಕದ ಮನೆಮನೆಗಳಲ್ಲೂ ಎಸ್. ಜಾನಕಿ ಅವರ ಹಾಡುಗಳು ಇಂದಿಗೂ ಬೆಳಗಿನ ಭಕ್ತಿಗೀತೆಗಳಾಗಿ, ಪ್ರೇಮಗೀತೆಗಳಾಗಿ, ಹಬ್ಬದ ಸಂಭ್ರಮವಾಗಿ, ಬದುಕಿನ ನೆನಪುಗಳಾಗಿ ಮೊಳಗುತ್ತಿವೆ.
ಅವರ ಧ್ವನಿ ಅನೇಕ ಕುಟುಂಬಗಳ ಭಾವನೆಗಳ ಒಂದು ಭಾಗವಾಗಿದೆ. ತಾಯಿಯ ನೆನಪಿನಲ್ಲಿ, ಪ್ರೀತಿಯ ನೆನಪಿನಲ್ಲಿ, ಬಾಲ್ಯದ ನೆನಪಿನಲ್ಲಿ, ಹಬ್ಬದ ಸಂಭ್ರಮದಲ್ಲಿ—ಎಲ್ಲೆಲ್ಲೂ ಜಾನಕಿ ಅವರ ಹಾಡುಗಳಿವೆ.
ಸ್ವರ ಮೌನವಾದರೂ…
ಕಾಲ ಬದಲಾಗಬಹುದು. ಸಂಗೀತದ ಶೈಲಿಗಳು ಬದಲಾಗಬಹುದು. ಹೊಸ ತಂತ್ರಜ್ಞಾನಗಳು ಬರಬಹುದು. ಆದರೆ ಭಾವನೆಗೆ ಜೀವ ತುಂಬುವ ಧ್ವನಿಗಳು ಅಪರೂಪ.
ಎಸ್. ಜಾನಕಿ ಅಂತಹ ಅಪರೂಪದ ಧ್ವನಿ. ಅವರ ದೇಹ ನಮ್ಮೊಂದಿಗಿಲ್ಲ. ಆದರೆ ಅವರು ಹಾಡಿದ ಪ್ರತಿಯೊಂದು ಗೀತೆ ಮುಂದಿನ ಹಲವು ತಲೆಮಾರುಗಳಿಗೂ ಬದುಕಿನ ಸಂಗಾತಿಯಾಗಿರುತ್ತದೆ. ಸಂಗೀತ ಇತಿಹಾಸವನ್ನು ಬರೆಯುವಾಗ ಅವರ ಹೆಸರನ್ನು ಬಿಟ್ಟು ಮುಂದೆ ಸಾಗುವುದು ಅಸಾಧ್ಯ. ಮರಣವು ಒಬ್ಬ ವ್ಯಕ್ತಿಯನ್ನು ಮಾತ್ರ ಕಸಿದುಕೊಳ್ಳಬಹುದು; ಅವರು ಸೃಷ್ಟಿಸಿದ ಕಲೆಯನ್ನು ಅಲ್ಲ.
ಎಸ್. ಜಾನಕಿ ಅವರ ಸ್ವರ ಇಂದು ಮೌನವಾಗಿದೆ. ಆದರೆ ಅವರು ಹಾಡಿದ ಸಾವಿರಾರು ಗೀತೆಗಳು ಭಾರತೀಯ ಸಂಗೀತಾಕಾಶದಲ್ಲಿ ಶಾಶ್ವತವಾಗಿ ಪ್ರತಿಧ್ವನಿಸುತ್ತಲೇ ಇರುತ್ತವೆ.
ಅವರ ಕಂಠಸಿರಿ ಕಾಲವನ್ನು ಮೀರಿದೆ.
ಅವರ ಸಂಗೀತ ತಲೆಮಾರುಗಳನ್ನು ಮೀರಿದೆ.
ಅವರ ನೆನಪು ಎಂದಿಗೂ ಅಳಿಯದು.
ಸ್ವರ ಮೌನವಾಗಿದೆ… ಆದರೆ ಸಂಗೀತ ಅಮರವಾಗಿದೆ. ಅದೇ ಎಸ್. ಜಾನಕಿ ಅವರ ಶಾಶ್ವತ ಪರಂಪರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಕವಿತೆ | ದೇವರ ಹೂವು
~ ಡಾ. ಸಿ.ಬಿ.ಐನಳ್ಳಿ
ಊಟ ಮಾಟ ವೇಷ ಭಾಷೆ
ಪ್ರಾರ್ಥನೆ ಬೇರೆ ಬೇರೆ
ಪವಿತ್ರಪಠ್ಯ ಅವನದೊಂದು
ನನ್ನದಿನ್ನೊಂದಂತೆ
ನದಿ ದಂಡೆಯ ಮೇಲೆ
ನೋಟ ಬೆರೆತು ಮಾತು ಮರೆತು
ಮೈತ್ರಿ ಮೊಳೆಯಿತು
ಎಷ್ಟು ಬಿಗಿದಪ್ಪಿಕೊಂಡರೂ
ಉಳಿಯುತ್ತಿತ್ತು ನಡುವೆ ಸಣ್ಣ ಪೊಳ್ದಾಣ
ಹೂದೋಟದ ದುಂಬಿ ಸತತ ಮೂರು
ವಸಂತದ ಗಾಳಿ ಅಣಕಿಸಿದಾಗ
ಪರಾಗಸ್ಪರ್ಶಕೆ ಹೊಸ ಹೂವೊಂದು
ಅರಳಿ ನಿಂತಿತು
ಪೊಳ್ಳಿನ ನೆನಪೇ ಮಾಯವಾಗಿದೆ
ಎಳೆ ಹೂವು ಮೈಮರೆತು
ಹಾಡಿ ಓಡಿ ನಲಿಯುತಿದೆ
ಧರ್ಮ ನನ್ನ ಕಣ್ಣೊಳಗೆ ಜಿನುಗಿ
ಹನಿಯಾಗಿ ಜಾರುತಿದೆ
ಕವಿ ಪರಿಚಯ : ಡಾ. ಸಿ.ಬಿ.ಐನಳ್ಳಿ, ಸಹಾಯಕ ಪ್ರಾಧ್ಯಾಪಕರು, ಇಂಗ್ಲೀಷ್ ವಿಭಾಗ, ಕರ್ನಾಟಕ ಕಲಾ ಮಹಾವಿದ್ಯಾಲಯ, ಧಾರವಾಡ
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoಅನುದಾನ ದುರುಪಯೋಗ | ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ನಿರ್ದೇಶಕ ಡಾ. ಅಶೋಕ್ ಡಿ.ಆರ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ6 days agoತುರ್ತು ಕುಡಿಯುವ ನೀರಿನ ಯೋಜನೆ ; 7 ಕೋಟಿ ಅನುದಾನದಲ್ಲಿ ಅವ್ಯವಹಾರ : ತನಿಖೆಗೆ ಆದೇಶಿಸಿ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಗೆ ದೂರು
-
ದಿನದ ಸುದ್ದಿ6 days agoಸುಶೋಭನ್ ಸೋನು ರಾಯ್ ಬೆಳ್ಳಿತೆರೆಗೆ
-
ದಿನದ ಸುದ್ದಿ4 days agoಡಾ. ಪ್ರೀತಿ ಅವರಿಗೆ ‘ಪರಮ್ ಭೂಷಣ್ ನ್ಯಾಷನಲ್ ಎಕ್ಸಲೆನ್ಸ್ ಅವಾರ್ಡ್
-
ದಿನದ ಸುದ್ದಿ15 hours agoಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಸಚಿವರಾಗಿ ಆಯ್ಕೆ: ದಾವಣಗೆರೆಯಲ್ಲಿ ಸಂಭ್ರಮ ಆಚರಣೆ


