ಅಂತರಂಗ
ಅರಿಮೆಯ ಅರಿವಿರಲಿ – 24 : ಅರಿವಿನ ಅಂಗಳ ಯಾವುದು..?
- ಯೋಗೇಶ್ ಮಾಸ್ಟರ್
ವ್ಯತ್ಯಾಸವರಿದ ಸ್ವ-ಭಾವಗಳ ಪ್ರದರ್ಶನ
ಒಬ್ಬ ವ್ಯಕ್ತಿಯು ತನ್ನ ಗುರಿ ಸಾಧಿಸಲು ಅವನಿಗೆ ಆತ್ಮವಿಶ್ವಾಸವಿರಬೇಕು. ತನ್ನನ್ನು ತಾನು ಮಾನ್ಯ ಮಾಡಿಕೊಳ್ಳುವಂತಹ, ತನ್ನ ಮೌಲ್ಯವನ್ನು ತಾನು ಗುರುತಿಸಿಕೊಳ್ಳುವಂತಹ ಆತ್ಮಗೌರವವಿರಬೇಕು. ಟೀಕೆಗಳನ್ನು, ಹಿಂದಕ್ಕೆ ಸೆಳೆಯುವ ಶಕ್ತಿಗಳನ್ನು ಮೀರಿ ಮುಂದಕ್ಕೆ ಹೋಗುವಂತಹ ಹಟವಿರಬೇಕು. ಯಾವ ಪ್ರಲೋಭನೆಗಳಿಗೆ ಮಣಿಯದೇ ದೃಢವಾಗಿ ನಿಲ್ಲುವಂತಹ ಸ್ವಾಭಿಮಾನವಿರಬೇಕು. ಹೌದು, ಇವೆಲ್ಲವೂ ಮೌಲ್ಯಗಳೇ. ವ್ಯಕ್ತಿಗತವಾಗಿ ಅಥವಾ ಸಾಮಾಜಿಕವಾಗಿ ಅತ್ಯುತ್ತಮವಾದುದನ್ನು ಸಾಧಿಸಲು ಇವೆಲ್ಲವೂ ಇರಬೇಕು. ಇದೆಲ್ಲವೂ ಮೇಲರಿಮೆಯೇ?
ಸ್ವಾಭಿಮಾನವಿರಬೇಕು ನಿಜ. ಆದರೆ ಅಹಂಕಾರವಿರಬಾರದು. ಸ್ವಾಭಿಮಾನ ಆರೋಗ್ಯವಾದ, ನೈತಿಕವಾದ, ಸಶಕ್ತವಾದ ಮನಸ್ಥಿತಿ. ಅಹಂಕಾರ ಮನೋರೋಗ. ಆತ್ಮಾಭಿಮಾನದಲ್ಲಿ ತನ್ನ ಬಗ್ಗೆ ಗೌರವವಿರುತ್ತದೆ, ಆದರೆ ಇತರರಿಗೂ ತನ್ನಂತೆಯೇ ಆತ್ಮಾಭಿಮಾನವಿರುವುದು, ಅದನ್ನು ನಾವು ಗೌರವಿಸಬೇಕು ಎಂಬ ಅರಿವಿರುತ್ತದೆ. ಆದರೆ ಮೇಲರಿಮೆಯಲ್ಲಿ ತಾನಷ್ಟೇ ಗೌರವಾನ್ವಿತ ವ್ಯಕ್ತಿಯಾಗಿರುತ್ತೇನೆ. ಉಳಿದವರು ನಾನು ಪಡೆಯುವಷ್ಟು ಗೌರವಕ್ಕೆ ಅರ್ಹರಲ್ಲ ಎಂಬ ಭಾವವಿರುತ್ತದೆ. ಹೆಮ್ಮೆ ಎಂಬುದು ಮಾಡಿರುವ ಕೆಲಸವೊಂದು ಸಫಲವಾದಾಗ ಸಾರ್ಥಕತೆಯ ಅಥವಾ ತೃಪ್ತಿಯನ್ನು ಪಡೆದಂತಹ ಸಂತೋಷ. ತನ್ನನ್ನು ತಾನು ಅಭಿನಂದಿಸಿಕೊಳ್ಳುವಂತಹ ಪ್ರೋತ್ಸಾಹ.
ಆದರೆ ಮೇಲರಿಮೆಯಲ್ಲಿ ತಾನು ಸಾಧಿಸದಿದ್ದರೂ ಸಾಧಿಸಿರುವಂತೆ ಬೀಗುವ ವ್ಯಸನ. ತನ್ನಿಂದ ಕೆಲಸವು ಆಗಿರದಿದ್ದರೂ ಆಗಿರುವಂತೆ ಭ್ರಮಿಸುವ ಒಂದು ಗೀಳು. ಹೆಮ್ಮೆ ತನ್ನನ್ನು ತಾನು ಹುರಿದುಂಬಿಸಿಕೊಳ್ಳುವಂತಹ ಸಂತೋಷವಾದರೆ, ಅಹಂಕಾರ ನಾನೇ ಮಾಡಿರುವುದು ಆದ್ದರಿಂದ ನಾನು ಉಳಿದವರಿಗಿಂತ ಮೇಲು ಎಂಬ ಭಾವ ರೋಗಗ್ರಸ್ತ.
ಇಷ್ಟು ಅರಿವಿಗಿರಲಿ. ನಾನು ಎಂಬ ಭಾವವು ತನ್ನತನದ ಸಾಂಕೇತಿಕ ಪ್ರತಿನಿಧಿ. ನಾನೇ ಎನ್ನುವುದು ಮೇಲರಿಮೆಯ ಉತ್ಪನ್ನವಾದ ಅಹಂಕಾರದ ಪ್ರದರ್ಶನ.
ವ್ಯಕ್ತಿಗತವಾಗಿ ತಮ್ಮ ವಿಷಯದಲ್ಲಿ ಮಾತ್ರವಲ್ಲ, ಧರ್ಮ, ಸಂಸ್ಕೃತಿ, ಜಾತಿ ಮತ್ತು ರಾಷ್ಟ್ರೀಯತೆಯ ವಿಷಯಗಳಲ್ಲಿ ಬಹಳಷ್ಟು ಜನರು ತಮ್ಮ ಅಹಂಕಾರವನ್ನು ಸ್ವಾಭಿಮಾನವೆಂದೂ, ಅರಿಮೆಯನ್ನು ಅರಿವೆಂದೂ, ಒಣಜಂಭವನ್ನು ಹೆಮ್ಮೆಯೆಂದೂ ಭಾವಿಸಿರುತ್ತಾರೆ.
ಆತ್ಮಾಭಿಮಾನದ ಮಾನದಂಡ
ಇಲ್ಲೊಂದು ಸರಳವಾದ ಮಾನದಂಡವಿರಲಿ, ಯಾರು ತಮ್ಮ ವಿಷಯಗಳು ಇತರೆಲ್ಲಾ ವಿಷಯಗಳಿಗಿಂತ ಶ್ರೇಷ್ಟವೆನ್ನುತ್ತಾರೋ, ತಮ್ಮದರ ಶ್ರೇಷ್ಟತೆಯನ್ನು ಎತ್ತಿ ಹಿಡಿಯಲು ಇತರರದನ್ನು ಅವಹೇಳನ ಮಾಡುತ್ತಾ ಹೋಲಿಸುತ್ತಿರುತ್ತಾರೋ, ತಮ್ಮದನ್ನು ಬಿಟ್ಟರೆ ಬೇರೊಂದು ಇಲ್ಲವೇ ಇಲ್ಲ ಎಂಬುದಾಗಿ ಭ್ರಮಾಧೀನರಾಗಿರುತ್ತಾರೋ ಅವರಗಿ ಸಾಮುದಾಯಿಕ ಮೇಲರಿಮೆಯ ರೋಗವಿದೆ ಎಂದು ಅರ್ಥ.
ತನ್ನತನದ ಅರಿವಿನ ಪ್ರಜ್ಞೆಯಲ್ಲಿ ಒಬ್ಬನಿಗೆ ತನ್ನ ಶಕ್ತಿ, ಸಾಮರ್ಥ್ಯ, ದೌರ್ಬಲ್ಯ, ಜ್ಞಾನ, ಅಜ್ಞಾನ, ಇತಿಮಿತಿ ಎಲ್ಲವೂ ತಿಳಿದಿರುತ್ತದೆ. ತನ್ನ ಶಕ್ತಿ ಮತ್ತು ಸಾಮರ್ಥ್ಯಕ್ಕೆ ಅನುಗುಣವಾಗಿ ವರ್ತಿಸುತ್ತಾನೆ, ಚಿಂತಿಸುತ್ತಾನೆ, ಮಾತಾಡುತ್ತಾನೆ, ಪ್ರದರ್ಶಿಸುತ್ತಾನೆ ಮತ್ತು ಕೆಲಸಗಳನ್ನು ಮಾಡುತ್ತಾನೆ.
ಅದೇ ಅಹಂಕಾರದ ಮೇಲರಿಮೆಯ ವ್ಯಕ್ತಿಯು ತನ್ನ ಶ್ರೇಷ್ಟತೆಯ ಭಾವದಲ್ಲಿ ಉನ್ಮತ್ತನಾಗಿರುತ್ತಾನೆ, ಅಮಲಿನಲ್ಲಿರುತ್ತಾನೆ, ಅಪ್ರಜ್ಞಾವಸ್ಥೆಯಲ್ಲಿರುತ್ತಾನೆ. ತನ್ನ ಅರಿಮೆಯ ಅಮಲಿನ ಅನುಗುಣವಾಗಿ ತನ್ನ ಅವೈಚಾರಿಕತೆಯನ್ನು ಅನಾವರಣಗೊಳಿಸಿಕೊಳ್ಳುತ್ತಿರುತ್ತಾನೆ.
ಈ ಅರಿಮೆಯದ್ದೇ ಅಮಲು ಜೀವನ ಪೂರ್ತಿ ಸಾಕಾಗುವಷ್ಟಿರುತ್ತದೆ, ಎದುರಿರುವವರಿಗೆ ಸಾಕುಸಾಕಾಗಿರುತ್ತದೆ; ಅದರಲ್ಲಿ ಮಾದಕ ದ್ರವ್ಯಗಳನ್ನು, ಮತ್ತೇರಿಸುವಂತಹ ಮದ್ಯಗಳನ್ನು ತೆಗೆದುಕೊಂಡರಂತೂ ಮುಗಿದೇ ಹೋಯಿತು. ನೀವು ಗಮನಿಸಿರುತ್ತೀರಿ. ಕೆಲವರು ಮದ್ಯ ಸೇವನೆ ಮಾಡುವಾಗ, ಮದ್ಯವು ಒಳಗೆ ಹೋಗುಹೋಗುತ್ತಿದ್ದಂತೆ ಹೆಚ್ಚು ಮಾತಾಡಲು ಪ್ರಾರಂಭಿಸುತ್ತಾರೆ. ಇದರ ಅರ್ಥ ಕುಡಿತವೆಂಬುದು ಅವರ ಮಾತಿನ ಕಾರಣವಲ್ಲ. ಅದು ನೆಪವಷ್ಟೇ. ಅವರ ಅರಿಮೆಯ ಪ್ರದರ್ಶನ ಅಲ್ಲಿ ಪ್ರಾರಂಭವಾಗುತ್ತದೆ. ತಾನು ಎಷ್ಟು ಗ್ರೇಟ್ ಎಂಬುದು ಬಹಳಷ್ಟು ಸಲ, ಬಹಳಷ್ಟು ಮಂದಿಯಲ್ಲಿ ಕಾಣುವುದು. ನಾನು ಹೀಗೆ ಮಾಡಿದೆ, ನಾನು ಹಾಗೆ ಮಾಡಿದೆ, ನಾನಿಲ್ಲದೇ ಹೋಗಿದ್ದರೆ ಆ ಕೆಲಸ ಆಗುತ್ತಲೇ ಇರಲಿಲ್ಲ.
ನಾನಾಗಿದ್ದಕ್ಕೆ ಸಹಿಸಿಕೊಂಡೆ, ನಾನು ಬಿಟ್ಟಿದ್ದಕ್ಕೆ ಅವನು ಉಳಿದುಕೊಂಡ, ನಾನೇನಾದರೂ ಮನಸ್ಸು ಮಾಡಿದ್ದರೆ ಅವನ ಕತೆ ಮುಗಿದುಹೋಗಿರುತ್ತಿತ್ತು. ನಾನು ನಾನು ನಾನು… ಅರಿಮೆಯೇ ಒಂದು ಅಮಲು, ಅದಕ್ಕೆ ಪೂರಕವಾಗಿ ಮತ್ತು ಪ್ರೇರಕವಾಗಿ ಮದ್ಯದ ಅಮಲೂ ಸೇರಿದರೆ! ಮತ್ತೆ ಕೆಲವರು ತಲೆ ತಿರುಗಿ ಬೀಳುವಷ್ಟು ಕುಡಿಯುವುದೇ ಇಲ್ಲ. ಅವರಿಗೆ ಇತಿಮಿತಿಗಳಿರುತ್ತವೆ. ಪಾರ್ಟಿಯಲ್ಲಿ ಅವರ ಕೆಲಸ ಇತರರ ಪ್ರದರ್ಶನ ಕಲೆಗಳನ್ನು ನೋಡುತ್ತಿರುವುದು. “ಹಾ, ಹೇಳಿ, ಹೇಳಿ, ಹೌದು ಹೌದು” ಎಂದು ಗ್ರೇಟುಗಳ ಪರಾಕುಗಳಿಗೆ ತಲೆಯಾಡಿಸುತ್ತಾ, ಒಳಗೊಳಗೇ ನಗುತ್ತಾ ಮಜ ತೆಗೆದುಕೊಳ್ಳುವುದು ಮಾತ್ರವಲ್ಲ ಕೆಲಸ. ಆ ಗ್ರೇಟು ಮತ್ತು ಈ ಗ್ರೇಟುಗಳೆರಡೂ ಸ್ಟಾರ್ ವಾರ್ ಮಾಡಲು ಮುಂದಾದಾಗ ಇಬ್ಬರನ್ನೂ ಪ್ರತ್ಯೇಕ ಪ್ರತ್ಯೇಕವಾಗಿ ಕರೆದು ನೀನೇ ಗ್ರೇಟು – ಆ ಕ್ಷುಲ್ಲಕನನ್ನು ಬಿಟ್ಟು ಬಿಡು ಎಂದು ಯುದ್ಧಸಂಧಾನ ಮಾಡಿಸುವವರು ಕೂಡಾ ಆಗಿರುತ್ತಾರೆ.
ಕುಡಿಯುವವರಿಗೆ ತಾನಷ್ಟು ಕುಡಿಯುತ್ತೇನೆ ಅವನಿಗೆ ಕುಡಿಯಲಾಗುವುದಿಲ್ಲ ಎಂಬ ಮೇಲರಿಮೆಯಾದರೆ, ತನ್ನೆಷ್ಟೇ ಸೆಳೆದರೂ ತಾನು ಕುಡಿಯುವುದಿಲ್ಲ ಎಂದು ಕುಡುಕರ ಮುಂದೆ ಕುಡಿಯದಿರುವವರ ಮೇಲರಿಮೆ.
ಒಟ್ಟಾರೆ ಮೇಲರಿಮೆಗಳ ರೋಗ ಮೇಲಾಗುವುದು ಇವು ಮೇಲರಿಮೆಗಳೆಂದು ತಿಳಿದಾಗಲೇ.
ಜ್ಞಾನಕೇಂದ್ರಗಳ ಅಜ್ಞಾನ
ಸಾಮಾನ್ಯವಾಗಿ ಯಾವುದೇ ಅರಿಮೆಗಳನ್ನು ಮಕ್ಕಳಲ್ಲಿ ಸ್ಪಷ್ಟವಾಗಿ ಗುರುತಿಸಲು ಸಾಧ್ಯವಾಗುವುದು ಶಿಕ್ಷಣ ಸಂಸ್ಥೆಗಳಲ್ಲಿ. ಸಾಮಾನ್ಯವಾಗಿ ಸಾಮಾಜಿಕ ಸಂಸ್ಥೆಗಳಲ್ಲಿ ವಿವಿಧ ಬಗೆಯ ಹಿನ್ನೆಲೆಗಳನ್ನು ಹೊಂದಿರುವಂತಹ ವ್ಯಕ್ತಿಗಳನ್ನು ನೋಡುತ್ತೇವೆ. ಅವರಿಗೆ ಪ್ರತಿಕ್ರಿಯಿಸುವ ಮತ್ತು ಸ್ಪಂದಿಸುವ ಪ್ರಕ್ರಿಯೆಯಲ್ಲಿ ಮಕ್ಕಳಲ್ಲಿರುವ ಅರಿಮೆಗಳ, ವ್ಯಕ್ತಿತ್ವಗಳ ಮತ್ತು ಧೋರಣೆಗಳ ಅನಾವರಣವಾಗುತ್ತವೆ.
ಮನೆಯಲ್ಲಾದರೆ ಸೀಮಿತ ಸದಸ್ಯರ ಮಾದರಿಗಳಿದ್ದು, ಹೊಂದಾಣಿಕೆ, ಅನುಸರಣಿಕೆ ಮತ್ತು ಸ್ವೀಕಾರಗಳು ಅನಿವಾರ್ಯವಾಗಿರುತ್ತವೆ. ಹಾಗಾಗಿಯೇ ಶಿಕ್ಷಕರ ಬಹಳ ಮುತುವರ್ಜಿಯಿಂದ ಮಕ್ಕಳಲ್ಲಿ ಅರಿಮೆಗಳನ್ನು ಗುರುತಿಸುವಂತಹ ಕೈಂಕರ್ಯವನ್ನು ಮಾಡಬೇಕಾಗುತ್ತದೆ. ಮಕ್ಕಳಲ್ಲಿ ಇರುವಂತಹ ಮಾನಸಿಕ ಸಮಸ್ಯೆಗಳನ್ನು ಗುರುತಿಸಿ ಅದನ್ನು ಪೋಷಕರ ಗಮನಕ್ಕೂ ತರುವಂತಹ ಕೆಲಸವಾದರೆ ಆಗ ಕುಟುಂಬದ ಸದಸ್ಯರಲ್ಲಿ ಇರುವಂತಹ ಮಾನಸಿಕ ಸಮಸ್ಯೆಗಳೂ, ವ್ಯಕ್ತಿತ್ವದ ಪುರಾವೆಗಳೂ, ಧೋರಣೆ (ಅಟಿಟ್ಯೂಡ್) ಗಳ ಮಾದರಿಗಳೂ ಗಮನಕ್ಕೆ ಬರುತ್ತವೆ. ಈ ಮೂಲಕ ಇಡೀ ಕುಟುಂಬವನ್ನೇ ಆರೋಗ್ಯಕರ ಮನಸ್ಥಿತಿಗೆ ಒಯ್ಯುವ ಸಾಮುದಾಯಕ ಕಾರ್ಯ ಮಾಡಿದಂತಾಗುತ್ತದೆ.
ಹಾಗಾದಾಗ ಮಾತ್ರ ಶೈಕ್ಷಣಿಕ ಪರಿಸರವು ವ್ಯಕ್ತಿತ್ವವಿಕಸನ ಕಾರ್ಯದಲ್ಲಿ ಬಹಳ ಮಹತ್ತರ ಪಾತ್ರವನ್ನು ವಹಿಸಿದಂತಾಗುತ್ತದೆ. ಒಂದೊಂದು ಪ್ರದೇಶದಲ್ಲಿ ಸ್ಥಾಪಿತವಾಗಿರುವಂತಹ ಶಿಕ್ಷಣ ಸಂಸ್ಥೆಗಳು ತಮ್ಮ ಸುತ್ತಮುತ್ತ ಇರುವ ಕುಟುಂಬಗಳ ಸದಸ್ಯರ ವ್ಯಕ್ತಿತ್ವ, ವ್ಯಕ್ತಿಗತ ಮೌಲ್ಯ, ವರ್ತನೆಗಳು, ಕ್ರಿಯೆ ಮತ್ತು ಪ್ರತಿಕ್ರಿಯೆಗಳೆಲ್ಲವೂ ಸಾಮಾಜಿಕ ಜೀವನದ ಮೇಲೆ ಪ್ರಭಾವವನ್ನು ಬೀರುತ್ತಿರುತ್ತವೆ ಎಂಬಂತಹ ಬಹಳ ಸ್ಪಷ್ಟವಾದ ದೃಷ್ಟಿಯನ್ನು ಹೊಂದಿದ್ದು ಮಕ್ಕಳ ಮೂಲಕ ಕೆಲಸ ಮಾಡುವಂತಾದರೆ ಮಾತ್ರ ಮಾನಸಿಕ ಆರೋಗ್ಯವುಳ್ಳ ಸಮಾಜವನ್ನು ನಿರ್ಮಿಸಲು ಸಾಧ್ಯ.ಮಕ್ಕಳಿಗೆ ಶಿಕ್ಷಣ ನೀಡುವುದು ಒಂದು ನೆಪ. ಸ್ವಾಸ್ಥ್ಯ ಸಮಾಜದ ನಿರ್ಮಾಣ ಶಿಕ್ಷಣ ಸಂಸ್ಥೆಗಳ ಗುರಿ.
ಮಗುವೊಂದು ರ್ಯಾಂಕ್ ಪಡೆದು, ಉತ್ತಮ ಕೆಲಸವೊಂದನ್ನು ಪಡೆದು, ಹೆಚ್ಚಿನ ಆದಾಯದಲ್ಲಿ ಆರಾಮವಾಗಿ ವಿಲಾಸೀ ಜೀವನ ನಡೆಸಿಕೊಂಡಿದ್ದರೆ ಸಾಮಾಜಿಕ ಸಂಸ್ಥೆಯಾದ ಶಾಲೆಯ ಗುರಿ ಏನು? ವ್ಯಕ್ತಿಯೊಬ್ಬನು ತನ್ನ ವ್ಯಕ್ತಿಗತವಾದ ಸುಖವನ್ನು ಪಡೆದುಕೊಂಡು ಸಾಮಾಜಿಕವಾಗಿಯೂ ಹಿತವುಂಟು ಮಾಡಬೇಕು. ಏಕೆಂದರೆ ಅವನು ಸಂಘಜೀವಿ, ಸಾಮಾಜಿಕ ಪಶು.
ಮಕ್ಕಳ ಭಿನ್ನವಾದ ಹಿನ್ನೆಲೆಗಳು ತಾವು ವಾಸಿಸುವ ಸಮಾಜ ಮತ್ತು ಜಗತ್ತಿನ ಬಗ್ಗೆ ಭಿನ್ನವಾದಂತಹ ದೃಷ್ಟಿಗಳನ್ನೇ ಹೊಂದಿರುತ್ತಾರೆ. ಕೆಲವು ಮಕ್ಕಳು ಹೊಸ ಅನುಭವಕ್ಕೆ ಮತ್ತು ತಿಳುವಳಿಕೆಗೆ ತೆರೆದುಕೊಂಡಂತೆ ಮತ್ತೆ ಕೆಲವು ಮಕ್ಕಳು ಅವುಗಳಿಂದ ಹಿಂದಕ್ಕೆ ಸರಿಯುತ್ತಾರೆ. ಅಂತೆಯೇ ದೃಷ್ಟಿಗಳಲ್ಲಿರುವ ಮೇಲರಿಮೆ ಮತ್ತು ಕೀಳರಿಮೆಗಳನ್ನು ತಮ್ಮ ವರ್ತನೆ ಮತ್ತು ಧೋರಣೆಗಳ ಮೂಲಕ ವ್ಯಕ್ತಪಡಿಸುತ್ತಿರುತ್ತಾರೆ. ಮಕ್ಕಳು ವಯಸ್ಕರಾಗಿ ಸಶಕ್ತರಾದಾಗ ಅವು ಆಚರಣೆಗೂ ಬರುತ್ತವೆ.
ಅವುಗಳು ಆಕ್ರಮಣಕಾರಿಯಾಗಿರಬಹುದು, ಆಡಂಬರದಿಂದ ಕೂಡಿರಬಹುದು, ಅವೈಜ್ಞಾನಿಕ ಮತ್ತು ಅವೈಚಾರಿಕತೆಯಿಂದಲೂ ವಿರೋಧಾಭಾಸದ ನಡೆಗಳಿಂದಲೂ ಕೂಡಿರಬಹುದು. ಆ ವ್ಯಕ್ತಿಗಳು ತಮ್ಮ ಕುಟುಂಬಕ್ಕೂ ಮತ್ತು ಸಮಾಜಕ್ಕೂ ಕಾಣ್ಕೆಗಳನ್ನು ನೀಡುವ ಬದಲು ಕಾಟಗಳಾಗಿ ಕಾಡಲು ಪ್ರಾರಂಭಿಸುತ್ತಾರೆ. ಇದೆಲ್ಲಾ ಕಾರಣಗಳಿಂದಾಗಿಯೇ ಅರಿವಿನ ಅಂಗಳವಾದ ಶಿಕ್ಷಣ ಸಂಸ್ಥೆಗಳಲ್ಲಿ ಅರಿಮೆಗಳನ್ನು ಬೆಳೆಯಗೊಡಬಾರದು.
ಆದರೆ ಇವುಗಳ ಅರಿವಿಲ್ಲದ ಕಾರಣ, ದೂರದೃಷ್ಟಿ ಮತ್ತು ಸೂಕ್ಷ್ಮದೃಷ್ಟಿಗಳಿಲ್ಲದ ಕಾರಣ ಆ ಹೊತ್ತಿನ ಶೈಕ್ಷಣಿಕ ಸಾಧನೆಗಳನ್ನು ಮಾತ್ರವೇ ಗಣನೆಗೆ ತೆಗೆದುಕೊಂಡು ಮಕ್ಕಳಿಗೆ ಶಿಕ್ಷಣ ನೀಡುತ್ತಾರೆ. ಅದರ ಫಲವೇ ವಿದ್ಯಾವಂತರಾದವರೂ, ಸುಶಿಕ್ಷಿತರಾಗಿರುವವರೂ, ಉನ್ನತ ಹುದ್ದೆಗಳಲ್ಲಿರುವವರೂ ಕೂಡಾ ಅಪರಾಧಿಗಳಾಗುತ್ತಾರೆ. ಸಂಬಂಧಗಳ ಮತ್ತು ಸಮಾಜದ ಸ್ವಾಸ್ಥ್ಯವನ್ನು ಕೆಡಿಸುತ್ತಿದ್ದಾರೆ.
ವಿದ್ಯಾವಂತರಲ್ಲೂ, ಸುಶಿಕ್ಷಿತರಲ್ಲೂ ಲಿಂಗತಾರತಮ್ಯಗಳನ್ನು, ಮತೀಯ ಭಾವನೆಗಳಲ್ಲಿ ಶ್ರೇಷ್ಟತೆಯ ವ್ಯಸನಗಳನ್ನು ನೋಡುತ್ತಿರುವ ಕಾರಣ ಇದೇ.
ಶಾಲೆಗಳ ಹಂತಗಳಲ್ಲಿಯೇ ಮಕ್ಕಳಲ್ಲಿ ಅರಿಮೆಗಳನ್ನು ಗುರುತಿಸುವಂತಹ ಕೆಲಸಗಳ ಜೊತೆಯಲ್ಲಿ ಸ್ವಾವಲಂಬನ, ಅನುಸರಣೆ, ಆಸರೆಯಾಗುವ ಗುಣ, ಗುಣಗ್ರಾಹಿಗಳಾಗುವುದು, ಪರೋಪಕಾರ ಮತ್ತು ಮುಂದಾಳುತನಗಳನ್ನು ಪ್ರೋತ್ಸಾಹಿಸುವಂತಹ ಕೆಲಸಗಳಾದರೆ ಮಾತ್ರ ಪ್ರಮುಖವಾಗಿರುವ ಸಾಮಾಜಿಕ ಸಂಸ್ಥೆಯಾಗಿರುವ ಶಾಲೆಗಳು ಸ್ವಾಸ್ಥ್ಯ ಜನಸಮುದಾಯಗಳನ್ನು ಮತ್ತು ಸಂರಚನಾತ್ಮಕ ಸಮಾಜಗಳನ್ನು ರೂಪಿಸುವಂತಹ ತಮ್ಮ ಜವಾಬ್ದಾರಿಯನ್ನು ನಿರ್ವಹಿಸಿದಂತಾಗುತ್ತದೆ.
(ಮುಂದುವರೆಯುವುದು)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ
~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ
ಅಂಬೇಡ್ಕರ್ ಅವರು ಭಾರತದ ಚರಿತ್ರೆಗಳ ರಚನೆಗೆ ಪ್ರಾಯೋಗಿಕ ಉಪಕರಣಗಳನ್ನು (ಎಂಪರಿಕಲ್ ಟೂಲ್ಸ್) ಬಳಸಿರುತ್ತಾರೆ. ಆದರೆ ಈ ಎಲ್ಲ ಉಪಕರಣಗಳು ಕೇವಲ ಚರಿತ್ರೆಯ ರಚನೆಗೆ ಮಾತ್ರ ಕಾರಣವಾಗದೆ, ಸಮೂಹಗಳ ಸಾಮಾಜಿಕ-ರಾಜಕೀಯ ಸಮಾನತೆ, ಸ್ವಾಯತ್ತತೆಯನ್ನೂ ಕಲ್ಪಿಸುವುದಕ್ಕೂ ಬದ್ಧವಾಗಿರುತ್ತವೆ. ಆರ್ಥಿಕತೆಯ ನಿಲುವುಗಳ ಮೂಲಕ ಭಾರತದ ಚರಿತ್ರೆಯನ್ನು ವ್ಯಾಖ್ಯಾನಿಸುವ ಕ್ರಮಗಳನ್ನು ಅಂಬೇಡ್ಕರ್ ಅವರು ಅತ್ಯಂತ ಕಟುವಾಗಿಯೇ ವಿಮರ್ಶಿಸುತ್ತಾರೆ.
ಸಮಾಜವಾದಿಗಳು ಮತ್ತು ಮಾರ್ಕ್ಸ್ವಾದಿಗಳು ಆರ್ಥಿಕತೆಯ ನೆಲೆಯಿಂದ ಭಾರತದಲ್ಲಿ ಚರಿತ್ರೆಗಳನ್ನು ನಿರ್ವಚಿಸುವ ಪ್ರಯತ್ನವನ್ನು ಮಾಡಿರುತ್ತಾರೆ ಎನ್ನುವುದನ್ನು ಇಲ್ಲಿ ಗಮನಿಸಬಹುದು. ಭಾರತದ ಚರಿತ್ರೆಗಳಲ್ಲಿ ದಾಖಲಾಗಿರುವ ಯಾವುದೇ ರಾಜಕೀಯ ಕ್ರಾಂತಿ/ಹೋರಾಟಗಳು ಯಾವಾಗಲೂ ಸಾಮಾಜಿಕ-ಧಾರ್ಮಿಕ ಕ್ರಾಂತಿಗಳಿಂದ ಮಾತ್ರ ಕೂಡಿರುವುದನ್ನೂ ಅಂಬೇಡ್ಕರ್ ಅವರು ಇಲ್ಲಿ ಗುರುತಿಸುತ್ತಾರೆ. ಭಾರತದಲ್ಲಿ ಅಷ್ಟೆಯಲ್ಲ, ಅಮೆರಿಕ, ಯುರೋಪ್, ಅರೇಬಿಯಾ ದೇಶಗಳಲ್ಲಿಯೂ ಇದೇ ಬಗೆಯ ಚರಿತ್ರೆಯ ನಿರ್ಮಾಣವು ನಡೆದಿರುವುದನ್ನು ನೋಡುತ್ತೇವೆ. ಮತ್ತು ಶಿವಾಜಿ, ಚಂದ್ರಗುಪ್ತ ಮೌರ್ಯ, ಸಿಖ್ ರಾಜ್ಯಗಳ ರಾಜರುಗಳಿಂದ ಕೈಗೊಳ್ಳಲಾದ ರಾಜಕೀಯ ಕ್ರಾಂತಿಗಳು, ಬುದ್ಧ, ಗುರು ನಾನಕ್ ಹಾಗೂ ಇತರ ಸಾಧು ಸಂತರ ಸಾಮಾಜಿಕ, ಧಾರ್ಮಿಕ ಚಳವಳಿಗಳ ಮೂಲಕ ಕಂಡಿರುತ್ತೇವೆ.
ಆದರೆ ಪರಿಣಾಮಗಳಲ್ಲಿ ಅಗಾಧವಾದ ವ್ಯತ್ಯಾಸಗಳನ್ನೂ ನಾವು ಇವತ್ತು ಕಾಣುತ್ತೇವೆ ಹಾಗೂ ಭಾರತದ ಚರಿತ್ರೆಗಳನ್ನು ಕುರಿತು ಬ್ರಿಟಿಶರು ತಾಳಿರುವ ಧೋರಣೆಗಳು ಅತ್ಯಂತ ದೋಷಪೂರಿತ ನೆಲೆಗಳಿಂದ ಕೂಡಿದ್ದವು ಎಂಬುದನ್ನು ಅಂಬೇಡ್ಕರ್ ಅವರು ಅತ್ಯಂತ ಬಲವಾಗಿ ನಂಬಿದ್ದರು. ಮತ್ತು ಅವುಗಳನ್ನು ಬಿಡಿಸಿ ತೋರಿಸುವುದಕ್ಕೆ ಬೇಕಾದ ಪರಿಕರಗಳನ್ನೂ ತಮ್ಮ ಅಧ್ಯಯನಗಳ ಮೂಲಕ ರೂಪಿಸಿರುತ್ತಾರೆ.
ಭಿನ್ನ ಸಂವೇದನೆಯ ಮೂಲಕ ಭಾರತವನ್ನು ಗ್ರಹಿಸಿದ ಅಂಬೇಡ್ಕರ್ ಚಿಂತನೆಗಳು ಹಾಗೂ ಸಾಮಾಜಿಕವಾಗಿ ಅತ್ಯಂತ ಸೂಕ್ಷ್ಮ ನಿಲುವುಗಳಾಗಿ ಯಾವತ್ತಿಗೂ ಚರ್ಚೆಗೆ ಒಳಪಡುತ್ತಿರುವ ‘ಅಲ್ಪಸಂಖ್ಯಾತರು’ ‘ಲಿಂಗ’ ಹಾಗೂ ‘ಜಾತಿ’ಗಳ ನಡುವೆ ಒಂದು ಬಗೆಯ ತಾರ್ಕಿಕ ನಂಟನ್ನು ಏರ್ಪಡಿಸಬಹುದು. ರಾಷ್ಟ್ರೀಯತೆಯ ಜೊತೆಗೆ ಅಲ್ಪಸಂಖ್ಯಾತರು, ಲಿಂಗ ಹಾಗೂ ಜಾತಿಯ ವಿನ್ಯಾಸಗಳನ್ನು ಇಟ್ಟು ನೋಡಿದರೆ, ರಾಷ್ಟ್ರೀಯತೆ ಎನ್ನುವುದು ಕೇವಲ ಏಕಾಕೃತಿಯ ನೆಲೆಯನ್ನಾಗಿ ಬಿಂಬಿಸಲಾಗುತ್ತದೆ. ಇಂತಹ ಏಕಾಕೃತಿ ನಿಲುವುಗಳನ್ನು ಭಗ್ನ ಮಾಡುವ ಅತ್ಯಂತ ಪ್ರಖರವಾದ ಚಿಂತನೆಗಳನ್ನು, ಅಲ್ಪಸಂಖ್ಯಾತ, ಲಿಂಗ, ಜಾತಿ ಮತ್ತು ಧರ್ಮಗಳ ವಿನ್ಯಾಸಗಳನ್ನು ನೆಲೆಯಾಗಿಸಿಕೊಂಡು ಅಂಬೇಡ್ಕರ್ ಅವರು ಚಿಂತಿಸಿರುತ್ತಾರೆ. ಹಾಗೂ ಈ ಚಿಂತನೆಗಳ ಮುಖೇನವೇ ಸಾಂಸ್ಕೃತಿಕ-ಚಾರಿತ್ರಿಕ ಬಹುಳತೆಯನ್ನು ಕಂಡರಿಸುವ ದಾರಿಗಳನ್ನೂ ಅವರ ಚಿಂತನೆಗಳಲ್ಲಿ ಕಾಣಬಹುದಾಗಿದೆ.
ಅಂದರೆ ಅಂಬೇಡ್ಕರ್ ಅವರ ಸೈದ್ಧಾಂತಿಕ ತಿಳಿವಿನ ಚೌಕಟ್ಟನ್ನು ಅರಿಯಬೇಕೆಂದರೆ, ಅವರು ಫ್ರೆಂಚ್ ಕ್ರಾಂತಿಯಿಂದ ಎರವಲು ಪಡೆದಿರುವ ಸಾಮಾಜಿಕ-ರಾಜಕೀಯ ‘ತ್ರಿಕೂಟ’ (ಟ್ರಿನಿಟಿ) ಪರಿಕಲ್ಪನೆಗಳನ್ನು ಇಲ್ಲಿ ನಾವು ಪರಿಗಣನೆಗೆ ತೆಗೆದುಕೊಳ್ಳುವ ಅಗತ್ಯವಿದೆ. ‘ಸ್ವಾತಂತ್ರ್ಯ, ಸಮಾನತೆ ಹಾಗೂ ಸಹೋದರತ್ವ’ ಎಂಬುದಾಗಿ ಈ ತ್ರಿಕೂಟ ಪರಿಕಲ್ಪನೆಗಳನ್ನು ಗುರುತಿಸಬಹುದು.
ಫ್ರೆಂಚ್ ಕ್ರಾಂತಿಯ ನಿಲುವುಗಳನ್ನು ಕುರುಡಾಗಿ ಅನುಕರಿಸುವುದಾಗಲೀ ಇಲ್ಲವೇ ಆ ಕ್ರಾಂತಿಯ ನಿಲುವುಗಳನ್ನು ಯಥಾವತ್ತಾಗಿ ಪಾಲಿಸುವುದಾಗಲೀ ಅಂಬೇಡ್ಕರ್ ಅವರ ಉದ್ದೇಶವಾಗಿರಲಿಲ್ಲ. ಆದರೆ ಈ ಕ್ರಾಂತಿಯಿಂದ ಪ್ರೇರಣೆಯನ್ನು ಮಾತ್ರ ಪಡೆದುಕೊಂಡಿರುತ್ತಾರೆ. ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳನ್ನು ಮರುಪರೀಕ್ಷಿಸುವುದು ಅಷ್ಟೆಯಲ್ಲದೆ ಅವುಗಳನ್ನು ಮರು ವಿನ್ಯಾಸಗೊಳಿಸಿರುವುದನ್ನೂ ಇಲ್ಲಿ ನೋಡಬಹುದು. ಅಂದರೆ, ಫ್ರೆಂಚ್ ಕ್ರಾಂತಿಯ ಸನ್ನಿವೇಶಕ್ಕಿಂತ ಮಿಗಿಲಾದ ಸಾಮಾಜಿಕ-ಸಾಂಸ್ಕೃತಿಕ ಆಯಾಮ ಮತ್ತು ಅರ್ಥಗಳನ್ನು ಅಂಬೇಡ್ಕರ್ ಅವರು ಈ ಪರಿಕಲ್ಪನೆಗಳಿಗೆ ಕೊಟ್ಟಿರುತ್ತಾರೆ.
ಜಾತಿಕೇಂದ್ರಿತವಾದ ಭಾರತ ದೇಶವು ವರ್ಗಕೇಂದ್ರಿತವಾದ ಫ್ರೆಂಚ್ ದೇಶಕ್ಕಿಂತ ಸಹಜವಾಗಿಯೇ ಭಿನ್ನವಾಗಿದೆ. ಈ ಸಾಮಾಜಿಕ ವಿನ್ಯಾಸಕ್ಕೆ ಅನುಗುಣವಾಗಿಯೇ ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳ ತಾತ್ವಿಕತೆಯನ್ನು ರೂಪಿಸಿರುತ್ತಾರೆ. ಸಮೂಹಗಳ ಒಳ್ಳೆಯ ಬದುಕಿಗೆ ಈ ತ್ರಿಕೂಟಗಳು ಅತ್ಯಂತ ಅವಶ್ಯವೆಂಬುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು (ರೊಡ್ರಿಗಸ್, 2002). ಚರಿತ್ರೆಯ ನಿರ್ಮಾಣದಲ್ಲಿ ಹಾಗೂ ಸಾಮಾಜಿಕ ಬದುಕುಗಳನ್ನು ಕಟ್ಟಿಕೊಳ್ಳುವಲ್ಲಿ ಈ ಸಮಾನತೆ, ಸ್ವಾತಂತ್ರ್ಯ ಹಾಗೂ ಸಹೋದರತ್ವವು ಎಷ್ಟೊಂದು ಮಹತ್ವದ ಪಾತ್ರವನ್ನು ವಹಿಸಬಲ್ಲವು ಎನ್ನುವುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು.
ಅಂಬೇಡ್ಕರ್ ಅವರು ಗಾಂಧಿ ಮತ್ತು ಕಾಂಗ್ರೇಸ್ ಸಂಘಟನೆಯನ್ನು ಕುರಿತು ‘ವ್ಹಾಟ್ ಗಾಂಧಿ ಆ್ಯಂಡ್ ಕಾಂಗ್ರೇಸ್ ಹ್ಯಾವ್ ಡನ್ ಟು ದ ಅನ್ಟಚೇಬಲ್ಸ್’ ಎಂಬ ಬರಹದಲ್ಲಿ ಸಮೂಹಗಳ ಏಳ್ಗೆಯ ನೆಲೆಯಿಂದ ವಿಶ್ಲೇಷಣೆ ಮಾಡಿರುತ್ತಾರೆ. ಅಂದರೆ ಸ್ವಾತಂತ್ರ್ಯ, ಸಮಾನತೆ ಮತ್ತು ಸಹೋದರತ್ವದಂತಹ ತ್ರಿಕೂಟ ಕಲ್ಪನೆಗಳು ಸಮೂಹಗಳ ಅಸ್ತಿತ್ವ, ಅಸ್ಮಿತೆ ಹಾಗೂ ಪ್ರಜ್ಞೆಯನ್ನು ಕುರಿತು ಮಾತ್ನಾಡಿದರೆ, ಕಾಂಗ್ರೆಸ್ ಸಂಘಟನೆಯು ರಾಷ್ಟ್ರೀಯತೆಯ ಕಲ್ಪನೆಯ ಬಗೆಗೆ ಮಾತ್ರ ಹೆಚ್ಚು ಕಾಳಜಿಯನ್ನು ವಹಿಸಿರುವುದನ್ನು ಇಲ್ಲಿ ನೋಡುತ್ತೇವೆ. ಆದರೆ ಗಾಂಧೀಜಿಯವರು ಸಾಂಪ್ರದಾಯಿಕ ರಾಷ್ಟ್ರೀಯತೆಯನ್ನು ಕುರಿತು ಯೋಚಿಸಿದರೆ, ನೆಹರೂ ಅವರು ಸಮಾಜವಾದದ ನೆಲೆಯಿಂದ ರಾಷ್ಟ್ರೀಯತೆಯ ಪ್ರಜ್ಞೆಯನ್ನು ರೂಪಿಸುವ ತುಡಿತವನ್ನು ಹೊಂದಿದ್ದರು. ಒಟ್ಟಾರೆ ರಾಷ್ಟ್ರೀಯತೆ ಬಗೆಗಿನ ನಿಲುವುಗಳಲ್ಲಿ ಬಹುಸಮಾಜಗಳು ಎದುರಿಸುವ ಸಾಮಾಜಿಕ-ರಾಜಕೀಯ ಬಿಕ್ಕಟ್ಟುಗಳು ಮಹತ್ವವನ್ನು ಪಡೆಯದೆ, ಕೇವಲ ರಾಷ್ಟ್ರ ಮತ್ತು ರಾಷ್ಟ್ರೀಯತೆಯ ಕುರಿತಾದ ಮೌಲ್ಯಗಳು ಮಾತ್ರ ಮುಂಚೂಣಿಗೆ ಬರುತ್ತವೆ.
ಹಾಗಾಗಿ ಭಾರತದ ಚರಿತ್ರೆಗಳಲ್ಲಿ ರಾಷ್ಟ್ರ, ರಾಷ್ಟ್ರ ಪ್ರಭುತ್ವ ಹಾಗೂ ರಾಷ್ಟ್ರೀಯತೆಗಳ ಮಹತ್ವ ಮತ್ತು ಹಿರಿಮೆಯ ಬಗೆಗಿರುವ ಕಾಳಜಿಗಳು, ಸಾಮಾಜಿಕ ಚರಿತ್ರೆಯನ್ನು ಬಿಂಬಿಸುವಲ್ಲಿ ಗೈರು ಆಗಿರುತ್ತವೆ. ಅಂಬೇಡ್ಕರ್ ಅವರು ಇಂತಹ ಚಾರಿತ್ರಿಕ ಲೋಪಗಳನ್ನು ಗುರುತಿಸುವ ಜೊತೆಗೆ, ರಾಜಕೀಯ ಪ್ರೇರಿತವಾದ ಚರಿತ್ರೆಗಳಿಗಿಂತ, ಸಾಮಾಜಿಕ ನೆಲೆಗಳಿಂದ ಚರಿತ್ರೆಯನ್ನು ಬರೆಯುವುದು ಎಷ್ಟೊಂದು ಮಹತ್ವದ ಕೆಲಸವೆಂಬುದನ್ನೂ ಮನಗಾಣಿಸಿದ್ದಾರೆ. ಸಾಮಾಜಿಕ ಚರಿತ್ರೆಗಳನ್ನು ಕಡೆಗಣಿಸಿ ರಾಷ್ಟ್ರೀಯತೆಯ ಕಲ್ಪನೆಯನ್ನು ಊಹಿಸುವುದು ಕೂಡ ದುಸ್ತರದ ಸಂಗತಿಯೆಂಬುದನ್ನು ಅಂಬೇಡ್ಕರ್ ಅವರು ಚಿಂತನೆಗಳು ನಮಗೆ ಮನವರಿಕೆ ಮಾಡುತ್ತವೆ. ಈ ಕಾರಣಗಳಿಂದ ‘ಚರಿತ್ರೆಯನ್ನು ಮರೆತವರು ಚರಿತ್ರೆಯನ್ನು ಸೃಷ್ಟಿಸಲಾರರು’ ಎಂಬ ನಿಲುವನ್ನು ಅತ್ಯಂತ ಬಲವಾಗಿಯೇ ಅಂಬೇಡ್ಕರ್ ಅವರು ನಂಬಿರುತ್ತಾರೆ ಎಂಬುದು ಅತ್ಯಂತ ಗಮನಾರ್ಹ ಸಂಗತಿ.
ಚರಿತ್ರೆ ಎಂಬುದು ಒಂದು ಕನಸಾಗಲೀ ಇಲ್ಲವೇ ಭ್ರಮೆಯಾಗಲೀ ಅಲ್ಲ ಹಾಗೂ ಚರಿತ್ರೆಯೆಂಬುದು ಒಂದು ನಿರ್ವಾತವೂ ಅಲ್ಲ ಮತ್ತು ತೆರಪುಗಳನ್ನು ತುಂಬುವ ಪ್ರಕ್ರಿಯೆಯೂ ಅಲ್ಲ. ಬದಲಾಗಿ ಅದೊಂದು ಸಾಮಾಜಿಕ-ಸಾಂಸ್ಕೃತಿಕ-ರಾಜಕೀಯ ಗ್ರಹಿಕೆ ಮತ್ತು ಜ್ಞಾನಶಿಸ್ತು ಆಗಿರುತ್ತದೆ. ಜ್ಞಾನಶಿಸ್ತುಗಳು ಮತ್ತು ಗ್ರಹಿಕೆಗಳು ಸಮೂಹ ಕೇಂದ್ರಿತವಾಗಿರುಬೇಕೆ ಹೊರತು ಕೇವಲ ರಾಜಕೀಯ-ಸಾಮಾಜಿಕ ಪ್ರಾಬಲ್ಯವನ್ನು ಹೊಂದಿರುವ ವ್ಯಕ್ತಿಗಳ ಇಲ್ಲವೇ ಆಳುವ ವರ್ಗಗಳನ್ನು ಮಾತ್ರ ಪ್ರತಿನಿಧಿಸುವ ವಿನ್ಯಾಸಗಳಾಗಿ ಇವುಗಳು ಇರಲಾರವು. ಚರಿತ್ರೆಯೂ ಒಂದು ಜ್ಞಾನಶಿಸ್ತೇ ಆಗಿರುವುದರಿಂದ, ಇದು ಬಹುಸಮೂಹಗಳನ್ನು ಪ್ರತಿನಿಧಿಸುವ ವಿನ್ಯಾಸವಾಗಬೇಕು ಎಂಬ ಅಚಲವಾದ ನಿಲುವನ್ನು ಅಂಬೇಡ್ಕರ್ ಅವರು ತಾಳಿದ್ದರು. ಯಾವುದೇ ಗ್ರಹಿಕೆಯು ಸಮೂಹ ಕೇಂದ್ರಿತವಾಗಿರುತ್ತದೆ ಎನ್ನುವ ನಿಲುವಿನಲ್ಲಿ ಅಂಬೇಡ್ಕರ್ ಅವರಿಗೆ ತಾತ್ವಿಕ ಹಾಗೂ ವೈಯಕ್ತಿಕವಾಗಿ ಅಪಾರವಾದ ನಂಬಿಕೆಯಿತ್ತು.
ಹಾಗಾಗಿ ಅಂಬೇಡ್ಕರ್ ಅವರು ನಿನ್ನೆಗಳನ್ನು ಕುರಿತಾದ ತಾತ್ವಿಕ ಪ್ರಶ್ನೆಗಳನ್ನು ಮೈಮೇಲೆ ಎಳೆದುಕೊಂಡು, ಅವುಗಳಿಗೆ ಉತ್ತರಗಳನ್ನು ಹುಡುಕುವ ಪ್ರಯತ್ನವನ್ನು ಮಾಡಿರುತ್ತಾರೆ. ನಿನ್ನೆಗಳು ತಮ್ಮ ಹಕ್ಕುಗಳೆಂದು ಯಾರು ವಾದಿಸುವವರೋ ಅವರೆಲ್ಲರಿಗೂ, ವರ್ತಮಾನದಲ್ಲಿ ಉಂಟಾಗಿರುವ ಬಿಕ್ಕಟ್ಟುಗಳಿಗೆ ಈ ನಿನ್ನೆಗಳು ಹೇಗೆ ಹೊಣೆಯಾಗಿವೆ ಎಂಬ ದಿಟವನ್ನು ಅರಿಯುವುದಕ್ಕೆ ಬೇಕಾದ ವಿಶ್ಲೇಷಣೆಗಳನ್ನು ಇವರು ಮಾಡಿರುತ್ತಾರೆ. ಅಂಬೇಡ್ಕರ್ ಅವರ ಈ ಹಾದಿಯು ಎಲ್ಲರಿಗೂ ಒಪ್ಪಿತವಾಗುವ ಸತ್ಯವನ್ನು ಹೇಳುವುದಲ್ಲ. ಬದಲಾಗಿ, ಎಲ್ಲ ಸಮೂಹಗಳ ಇವತ್ತಿನ ಬದುಕಿಗೆ ಅಗತ್ಯವಾಗಿರುವ ಹಾದಿಗಳನ್ನು ರೂಪಿಸುವುದಾಗಿತ್ತು. ಆದ್ದರಿಂದ, ಸದ್ಯದ ಚರಿತ್ರೆ, ಸಾಹಿತ್ಯ, ಸಂಸ್ಕೃತಿ, ಆರ್ಥಿಕತೆ ಹಾಗೂ ರಾಜಕಾರಣವನ್ನು ವಿಶ್ಲೇಷಿಸುವುದಕ್ಕೆ ಅಂಬೇಡ್ಕರ್ ಅವರು ರೂಪಿಸಿದ ಈ ತಾತ್ವಿಕ ವಿನ್ಯಾಸಗಳು ಅತ್ಯಂತ ಸಮರ್ಪಕವಾಗಿರುತ್ತವೆ. ಇವರ ಈ ತಾತ್ವಿಕ ವಿನ್ಯಾಸಗಳಲ್ಲಿ ಅನ್ಯ ಪ್ರಭಾವಕ್ಕಿಂತ ಪ್ರೇರಣೆಗಳನ್ನು ಮಾತ್ರ ನಾವು ಕಾಣುತ್ತೇವೆ. ಆದ್ದರಿಂದ ಅಂಬೇಡ್ಕರ್ ಅವರು ರೂಪಿಸಿದ ಮರುರಚನೆಯ (ರೀಕನ್ಸ್ಟ್ರಕ್ಸನ್) ಮಾದರಿಗಳು ಕೇವಲ ತೆರಪುಗಳನ್ನು ತುಂಬುವ ರಚನೆಗಳಾಗದೆ, ವರ್ತಮಾನದ ಬಿಕ್ಕಟ್ಟುಗಳಿಗೆ ಇವುಗಳು ಹೇಗೆ ಕಾರಣವಾಗಿರುತ್ತವೆ ಹಾಗೂ ಇವುಗಳಿಗೆ ಉತ್ತರಗಳನ್ನು ಕಂಡುಕೊಳ್ಳುವ ಬಗೆಗಳಾವುವು ಎಂಬೆಲ್ಲ ಸಂಗತಿಗಳನ್ನು ಕುರಿತು ಅತ್ಯಂತ ವಸ್ತುನಿಷ್ಠ ವಿಶ್ಲೇಷಣೆಗಳನ್ನು ತಮ್ಮ ಬರಹಗಳಲ್ಲಿ ಮಾಡಿರುತ್ತಾರೆ.
ಅಂಬೇಡ್ಕರ್ ಅವರಿಗಿಂತ ಮೊದಲು ಇಂತಹದೊಂದು ನೋಟಕ್ರಮಕ್ಕೆ ಚಾಲನೆಯನ್ನು ಕೊಟ್ಟವರು ಜ್ಯೋತಿರಾವ್ ಫುಲೆಯವರು. ಆದರೆ ಇವರಿಬ್ಬರ ತಿಳಿವಳಿಕೆಗಳನ್ನು ಹೋಲಿಸಿ ನೋಡುವ ಉದ್ದೇಶಕ್ಕಿಂತ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳು ಬೆಳೆಯುವುದಕ್ಕೆ ಬೇಕಾಗಿರುವ ಚಾರಿತ್ರಿಕ ಒತ್ತಡಗಳು ಹೇಗಿರುತ್ತವೆ ಎಂಬ ದಿಟವನ್ನು ಅರಿಯುವುದಕ್ಕೆ, ಫುಲೆಯವರ ಚಿಂತನೆಗಳನ್ನು ಇಲ್ಲಿ ಚರ್ಚಿಸಲಾಗಿದೆ. ಹಾಗೂ ಭಾರತದ ಸನ್ನಿವೇಶದಲ್ಲಿ ಚರಿತ್ರೆ ಕಥನಶಾಸ್ತ್ರಗಳ ವಿಭಿನ್ನ ಸ್ವರೂಪವನ್ನೂ ಈ ಮೂಲಕ ಅರಿಯಬಹುದಾಗಿದೆ. ಜ್ಞಾನಶಿಸ್ತುಗಳನ್ನು ರೂಪಿಸುವ ಪ್ರಕ್ರಿಯೆಯ ಭಾಗವಾಗಿ ಈ ಹಾದಿಯನ್ನು ಕರ್ನಾಟಕದ ವಿದ್ವತ್ ಲೋಕದಲ್ಲಿ ಇಡೀಯಾಗಿ ಅನುಸರಿಸುವುದನ್ನು ನಾನು ಕಾಣಲಾರೆ.
ಅಂದರೆ ಯಾರೂ ಈ ಹಾದಿಯನ್ನು ತುಳಿಯುತ್ತಿಲ್ಲವೆಂದು ಅರ್ಥವಲ್ಲ. ಬದಲಾಗಿ ಇದುವೇ ಮುಖ್ಯಧಾರೆ ಚಿಂತನೆಯ ಕ್ರಮವಾಗಿ ಭಾರತ ಇಲ್ಲವೇ ಕರ್ನಾಟಕದಲ್ಲಿ ಇನ್ನೂ ಬೆಳೆದಿಲ್ಲವೆಂದರ್ಥ. ಆದರೆ ಅಂಬೇಡ್ಕರ್ ಚಿಂತನೆಯ ಮಾದರಿಯೆಂಬುದನ್ನು ಕೇವಲ ಪರ್ಯಾಯ ಆಲೋಚನೆಯ ಕ್ರಮವನ್ನಾಗಿ ಮಾತ್ರ ನೋಡಲಾಗಿದೆ. ಈ ನಿಲುವು ಸರಿಯಲ್ಲ. ಏಕೆಂದರೆ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳೇ ನಮ್ಮ ಮುಖ್ಯಧಾರೆಯ ಆಲೋಚನೆಯ ಕ್ರಮಗಳಾಗಬೇಕಾದ ತುರ್ತು ಇದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ
~ಗೋವರ್ಧನ ನವಿಲೇಹಾಳು
ಮಧ್ಯ ಕರ್ನಾಟಕದ ಹೃದಯಭಾಗವಾದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಈಗ ಉಪಚುನಾವಣೆಯ ಕಾವು ಏರುತ್ತಲೇ ಇದೆ. ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದಾಗಿ ಖಾಲಿಯಾದ ಈ ಕ್ಷೇತ್ರದಲ್ಲಿ ಏಪ್ರಿಲ್ 9, 2026ರಂದು ಮತದಾನ ನಡೆಯಲಿದೆ. ಫಲಿತಾಂಶ ಮೇ 4ರಂದು ಪ್ರಕಟವಾಗಲಿದೆ. ಈ ಉಪಚುನಾವಣೆಯು ಕೇವಲ ಒಂದು ಸೀಟಿನ ಹೋರಾಟವಲ್ಲ; ಇದು ಕರ್ನಾಟಕ ರಾಜಕೀಯದಲ್ಲಿ ಪ್ರತಿಷ್ಠೆ, ಕುಟುಂಬ ವಾರಸುದಾರಿಕೆ, ಸಮುದಾಯ ಸಮೀಕರಣಗಳು ಮತ್ತು ಅಭಿವೃದ್ಧಿ ನಿರೀಕ್ಷೆಗಳ ನಡುವಿನ ಸಂಕೀರ್ಣ ಸಮರವಾಗಿದೆ.
ಶಾಮನೂರು ಶಿವಶಂಕರಪ್ಪ ಅವರು ತಾನು ಸ್ಪರ್ಧಿಸಿದ ಈ ಕ್ಷೇತ್ರವನ್ನು ಎಂದೂ ಸೋಲದೆ ಉಳಿಸಿಕೊಂಡಿದ್ದರು. ಅವರ ನಂತರ ಕಾಂಗ್ರೆಸ್ ಪಕ್ಷವು ಅವರ ಮೊಮ್ಮಗ ಸಮರ್ಥ್ ಶಾಮನೂರು ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ಇದು ಕಾಂಗ್ರೆಸ್ ಹೇಳುವಂತೆ “ಕುಟುಂಬಕ್ಕೆ ಟಿಕೆಟ್ ನೀಡುವ ಸಾಂಪ್ರದಾಯಿಕ ನಡೆ”ಯಾಗಿದೆ. ಬಿಜೆಪಿ ಪಕ್ಷವು ಶ್ರೀನಿವಾಸ್ ಟಿ. ದಾಸಕರಿಯಪ್ಪ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದೆ. ಇದರ ಜೊತೆಗೆ SDPIಯ ಅಫ್ಸರ್ ಕೊಡ್ಲಿಪೇಟೆ, ಸಾದಿಕ್ ಪೈಲ್ವಾನ್ ಸೇರಿದಂತೆ 25 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಆದರೆ ಮುಖ್ಯ ಹೋರಾಟ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆಯೇ ಇದೆ .
ಈ ಉಪಚುನಾವಣೆಯಲ್ಲಿ ಮುಸ್ಲಿಂ ಸಮುದಾಯದ ಪಾತ್ರ ನಿರ್ಣಾಯಕವಾಗಿದೆ. ಕ್ಷೇತ್ರದಲ್ಲಿ ಮುಸ್ಲಿಂ ಮತದಾರರ ಸಂಖ್ಯೆ ಸುಮಾರು 40% ಇದೆ ಎಂದು ಅಂದಾಜು. ಶಾಮನೂರು ಕುಟುಂಬಕ್ಕೆ ಐತಿಹಾಸಿಕ ಬೆಂಬಲವಿದ್ದರೂ, ಈ ಬಾರಿ ಮುಸ್ಲಿಂ ನಾಯಕರು ಟಿಕೆಟ್ ಆಕಾಂಕ್ಷೆಯನ್ನು ವ್ಯಕ್ತಪಡಿಸಿದ್ದರು. ಕಾಂಗ್ರೆಸ್ ಪಕ್ಷವು ಕುಟುಂಬ ವಾರಸುದಾರಿಕೆಯನ್ನು ಆಯ್ಕೆ ಮಾಡಿದ್ದಕ್ಕೆ ಅಸಮಾಧಾನ ವ್ಯಕ್ತವಾಗಿದೆ. ಸಚಿವ ಜಮೀರ್ ಅಹಮದ್ ಅವರ ಪ್ರಚಾರ ಮತ್ತು ಸಿಎಂ ಸಿದ್ದರಾಮಯ್ಯ ಅವರ ಭೇಟಿಗಳು ಈ ಅಸಮಾಧಾನವನ್ನು ತಣಿಸುವ ಪ್ರಯತ್ನವಾಗಿದೆ. ಆದರೆ ಮುಸ್ಲಿಂ ಮತಗಳ ವಿಭಜನೆಯ ಸಾಧ್ಯತೆ ಇದೆ. SDPI ಮತ್ತು ಇತರ (ಕಾಂಗ್ರೆಸ್ ಸಾದಿಕ್ ಅವರನ್ನು ಪೈಲ್ವಾನ್ ತಟಸ್ಥರಾಗಿರುವಂತೆ ಹೇಳಿದೆ) ಮುಸ್ಲಿಂ ಅಭ್ಯರ್ಥಿಗಳು ಈ ವಿಭಜನೆಯನ್ನು ಹೆಚ್ಚಿಸುವ ಸಾಧ್ಯತೆಯಿದೆ. ಬಿಜೆಪಿ ಎಸ್ಟಿ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಅಹಿಂದ ಮತಗಳನ್ನು ಸೆಳೆಯುವ ತಂತ್ರ ರೂಪಿಸಿದೆ.
ಕಾಂಗ್ರೆಸ್ ಪಕ್ಷಕ್ಕೆ ಈ ಉಪಚುನಾವಣೆ ಪ್ರತಿಷ್ಠೆಯ ವಿಷಯವಾಗಿದೆ. ರಾಜ್ಯದಲ್ಲಿ ಆಡಳಿತಾರೂಢ ಪಕ್ಷವಾಗಿ ತನ್ನ ಬಲವನ್ನು ಉಳಿಸಿಕೊಳ್ಳುವುದು ಅತ್ಯಗತ್ಯ. ಸಿಎಂ ಸಿದ್ದರಾಮಯ್ಯ ಅವರು ಬಜೆಟ್ನಲ್ಲಿ ದಾವಣಗೆರೆ ದಕ್ಷಿಣಕ್ಕೆ 100 ಕೋಟಿ ರೂಪಾಯಿ ಅನುದಾನ ಘೋಷಿಸಿದ್ದು, ಇದು ಉಪಚುನಾವಣೆಗೆ ಮುನ್ನ ಜನರನ್ನು ಆಕರ್ಷಿಸುವ ಪ್ರಯತ್ನವಾಗಿ ಕಾಣುತ್ತಿದೆ. ಅನುಕಂಪದ ಅಲೆಯೂ ಕಾಂಗ್ರೆಸ್ಗೆ ಬೆಂಬಲ ನೀಡುವ ಸಾಧ್ಯತೆಯಿದೆ. ಆದರೆ ಪಕ್ಷದಲ್ಲಿ ಬಂಡಾಯದ ಬಿಸಿ ತಟ್ಟಿದೆ. ಕಾಂಗ್ರೆಸ್ ನ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಅವರನ್ನು ಪಕ್ಷ ಚುನಾವಣೆಯಲ್ಲಿ ತಟಸ್ಥರಾಗಿರುವಂತೆ ಹೇಳಿದೆ. ಆದರೆ ಇದು ಮುಸಲ್ಮಾನರ ಒಳಮುನಿಸನ್ನು ತಣಿಸುತ್ತದೆಯೇ ಅಥವಾ ಮತ ವಿಭಜನೆಗೆ ಕಾರಣವಾಗುತ್ತದೆಯೇ ಎಂಬುದು ಫಲಿತಾಂಶದ ಮೇಲೆ ಪರಿಣಾಮವನ್ನಂತೂ ಬೀರುತ್ತದೆ.
ಬಿಜೆಪಿ ಪಕ್ಷಕ್ಕೆ ಇದು ನೈತಿಕ ಸ್ಥೈರ್ಯವನ್ನು ಹೆಚ್ಚಿಸುವ ಅವಕಾಶ. 2023ರ ವಿಧಾನಸಭಾ ಚುನಾವಣೆಯಲ್ಲಿ ಶಾಮನೂರು ಶಿವಶಂಕರಪ್ಪ ಅವರು ಬಿಜೆಪಿ ಅಭ್ಯರ್ಥಿ ಅಜಯ್ ಕುಮಾರ್ ಅವರನ್ನು ಸುಮಾರು 27,888 ಮತಗಳ ಅಂತರದಿಂದ ಸೋಲಿಸಿದ್ದರು. ಈ ಬಾರಿ ಬಿಜೆಪಿ “ಬದಲಾವಣೆ”ಯ ಸಂದೇಶವನ್ನು ನೀಡುತ್ತಿದೆ. ಅಭಿವೃದ್ಧಿ ಕೊರತೆ, ಗ್ಯಾರಂಟಿ ಯೋಜನೆಗಳ ವೆಚ್ಚ ಮತ್ತು ಸರ್ಕಾರದ ನೀತಿಗಳ ವಿರುದ್ಧ ವಾಗ್ದಾಳಿ ನಡೆಸುತ್ತಿದೆ. ಶ್ರೀನಿವಾಸ್ ದಾಸಕರಿಯಪ್ಪ ಅವರು ಕುಟುಂಬ ರಾಜಕಾರಣಕ್ಕೆ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ. ಆದರೆ ಬಿಜೆಪಿಗೆ ಕ್ಷೇತ್ರದಲ್ಲಿ ಐತಿಹಾಸಿಕ ಬೆಂಬಲ ಕಡಿಮೆ. ಮುಸ್ಲಿಂ ಮತ್ತು ಅಹಿಂದ ಮತಗಳನ್ನು ತನ್ನತ್ತ ಸೆಳೆಯುವುದು ಅವರ ದೊಡ್ಡ ಸವಾಲು.
ದಾವಣಗೆರೆ ದಕ್ಷಿಣ ಕ್ಷೇತ್ರವು ಕೈಗಾರಿಕೆ, ವ್ಯಾಪಾರ ಮತ್ತು ಕೃಷಿಯ ಸಮ್ಮಿಶ್ರಣವಾಗಿದೆ. ರಸ್ತೆಗಳು, ನೀರಾವರಿ, ಉದ್ಯೋಗ, ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳು ಜನರ ಮುಖ್ಯ ನಿರೀಕ್ಷೆಗಳು. ಹಿರಿಯ ಶಾಸಕರ ಕಾಲದಲ್ಲಿ ಕ್ಷೇತ್ರಕ್ಕೆ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದ್ದವು. ಆದರೆ ಇಂದು ಯುವಕರ ಉದ್ಯೋಗ, ಮಹಿಳೆಯರ ಸುರಕ್ಷತೆ ಮತ್ತು ಸ್ಥಳೀಯ ಸಮಸ್ಯೆಗಳು ಬಗೆಹರಿಯಬೇಕಿದೆ. ಉಪಚುನಾವಣೆಯಲ್ಲಿ ಅಭ್ಯರ್ಥಿಗಳು ಭರವಸೆಗಳ ಮಳೆ ಸುರಿಸುತ್ತಿದ್ದಾರೆ. ಆದರೆ ಜನರು ನೋಡುವುದು ಕಾರ್ಯನಿರ್ವಹಣೆಯನ್ನು. 100 ಕೋಟಿ ಅನುದಾನ ಘೋಷಣೆಯಂತಹ ಕ್ರಮಗಳು ತಾತ್ಕಾಲಿಕ ಆಕರ್ಷಣೆಯಾಗಬಹುದು, ಆದರೆ ಸುಸ್ಥಿರ ಅಭಿವೃದ್ಧಿ ಅಗತ್ಯ.
ರಾಜಕೀಯವು ಜನಸೇವೆಗಾಗಿ ಇರಬೇಕು, ಅಧಿಕಾರಕ್ಕಾಗಿ ಅಲ್ಲ ಎಂಬುದು ಎಲ್ಲರೂ ಹೇಳುವ ಮಾತು. ಆದರೆ ವಾಸ್ತವದಲ್ಲಿ ಕುಟುಂಬ ರಾಜಕಾರಣ, ಜಾತಿ-ಸಮುದಾಯ ಲೆಕ್ಕಾಚಾರಗಳು ಪ್ರಬಲವಾಗಿವೆ. ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬದ ವರ್ಚಸ್ಸು ದೀರ್ಘಕಾಲದ್ದು. ಇದು ಜನಸೇವೆಯ ಫಲವೋ ಅಥವಾ ವ್ಯವಸ್ಥೆಯ ದೌರ್ಬಲ್ಯವೋ ಎಂಬುದನ್ನು ಜನರು ನಿರ್ಧರಿಸಬೇಕು. ಬಿಜೆಪಿ “ಬದಲಾವಣೆ”ಯ ಸಂದೇಶ ನೀಡುತ್ತಿದ್ದರೂ, ಅದು ಕೇವಲ ವಿರೋಧ ಪಕ್ಷದ ಧ್ವನಿಯಾಗಿ ಉಳಿಯದೆ ಸಕಾರಾತ್ಮಕ ಪರ್ಯಾಯವಾಗಬೇಕು.
ಈ ಉಪಚುನಾವಣೆಯಲ್ಲಿ ಮತದಾರರ ಜವಾಬ್ದಾರಿ ದೊಡ್ಡದು. ಅನುಕಂಪ, ಕುಟುಂಬ ನಿಷ್ಠೆ ಅಥವಾ ಸಮುದಾಯ ಲೆಕ್ಕಾಚಾರಕ್ಕಿಂತ ಹೆಚ್ಚಾಗಿ ಅಭಿವೃದ್ಧಿ, ಪಾರದರ್ಶಕತೆ ಮತ್ತು ಜನೋಪಯೋಗಿ ಕಾರ್ಯಗಳನ್ನು ಆಧರಿಸಿ ಮತ ನೀಡಬೇಕು. ಯುವಕರು ಮತ್ತು ಮಹಿಳೆಯರು ಹೆಚ್ಚು ಸಕ್ರಿಯರಾಗಬೇಕು. ಮತದಾನ ಶೇಕಡಾ 80ಕ್ಕಿಂತ ಹೆಚ್ಚು ಆಗುವಂತೆ ಮಾಡುವುದು ಪ್ರಜಾಪ್ರಭುತ್ವದ ಆರೋಗ್ಯಕ್ಕೆ ಸೂಚಕ.
ಕರ್ನಾಟಕ ರಾಜಕೀಯದಲ್ಲಿ ಉಪಚುನಾವಣೆಗಳು ಸಣ್ಣ ಪರೀಕ್ಷೆಗಳು. ದಾವಣಗೆರೆ ದಕ್ಷಿಣದ ಫಲಿತಾಂಶವು 2028ರ ವಿಧಾನಸಭಾ ಚುನಾವಣೆಗೆ ಸಂದೇಶ ನೀಡುತ್ತದೆ. ಕಾಂಗ್ರೆಸ್ ಗೆದ್ದರೆ ಅದು ತನ್ನ ಬಲವನ್ನು ಮತ್ತಷ್ಟು ಭದ್ರಪಡಿಸಿಕೊಳ್ಳುತ್ತದೆ. ಬಿಜೆಪಿ ಗೆದ್ದರೆ ಅದು ವಿರೋಧ ಪಕ್ಷವಾಗಿ ತನ್ನ ಸಾಮರ್ಥ್ಯವನ್ನು ತೋರಿಸುತ್ತದೆ. ಆದರೆ ಗೆಲುವು ಯಾರದ್ದಾದರೂ, ಜಯಿಸುವುದು ದಾವಣಗೆರೆ ದಕ್ಷಿಣದ ಜನರೇ ಆಗಬೇಕು.
ಈ ಹೋರಾಟದಲ್ಲಿ ರಾಜಕೀಯ ಪಕ್ಷಗಳು ಜನರ ಸಮಸ್ಯೆಗಳನ್ನು ಕೇಂದ್ರದಲ್ಲಿ ಇರಿಸಿಕೊಂಡು ಪ್ರಚಾರ ಮಾಡಲಿ. ಮತದಾರರು ತಮ್ಮ ಧ್ವನಿಯನ್ನು ಸ್ಪಷ್ಟವಾಗಿ ಮತ್ತು ನಿರ್ಭಯವಾಗಿ ವ್ಯಕ್ತಪಡಿಸಲಿ. ದಾವಣಗೆರೆ ದಕ್ಷಿಣ ಉಪಚುನಾವಣೆಯು ಪ್ರಜಾಪ್ರಭುತ್ವದ ಸೌಂದರ್ಯವನ್ನು ಪ್ರದರ್ಶಿಸುವ ಅವಕಾಶವಾಗಲಿ. ಅಭಿವೃದ್ಧಿ, ಸಮಾನತೆ ಮತ್ತು ಪಾರದರ್ಶಕ ಆಡಳಿತದತ್ತ ಕ್ಷೇತ್ರ ಸಾಗಲಿ ಎಂಬುದೇ ನಮ್ಮ ಆಶಯ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ
250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು
ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ
ಬೆಂಗಳೂರು: ಮಧ್ಯಪ್ರದೇಶ ರಾಜ್ಯದ ಖಾರ್ಗೋನ್ ಜಿಲ್ಲೆಯಲ್ಲಿರುವ ನರ್ಮದಾ ನದಿ ತೀರದಲ್ಲಿ 250ಕ್ಕೂ ಹೆಚ್ಚು ಗಿಳಿಗಳು ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ ಸಾವನ್ನಪ್ಪಿರುವ ಪ್ರಕರಣ ಇಡೀ ದೇಶದಲ್ಲಿ ಇದೇ ಮೊದಲ ಬಾರಿಗೆ ನಡೆದ ದುರ್ಘಟನೆ ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ ಆತಂಕ ವ್ಯಕ್ತಪಡಿಸಿದ್ದಾರೆ.
ಕಳೆದ ಮೂರು ದಿನಗಳಲ್ಲಿ ನರ್ಮದಾ ನದಿ ತೀರದಲ್ಲಿ ಸುಮಾರು ಇನ್ನೂರಕ್ಕೂ ಅಧಿಕ ಗಿಳಿಗಳು ನಿಗೂಢವಾಗಿ ಸಾವನ್ನಪ್ಪಿದ್ದು ಆರಂಭದಲ್ಲಿ ಇದು ಹಕ್ಕಿ ಜ್ವರ ದಿಂದ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿತ್ತು ಆದರೆ ಪಶುವೈದ್ಯಕೀಯ ಅಧಿಕಾರಿ ಡಾ. ಸುರೇಶ್ ಬಫೇಲ್ ಅವರು ನೀಡಿದ ಮಾಹಿತಿ ಪ್ರಕಾರ ಹಕ್ಕಿಗಳ ಹೊಟ್ಟೆಯಲ್ಲಿ ಅಕ್ಕಿ ಕಾಳುಗಳು ಮತ್ತು ಸಣ್ಣ ಕಲ್ಲುಗಳು ಪತ್ತೆಯಾಗಿವೆ. ಅಲ್ಲದೆ ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ 200 ರಿಂದ 50 ಕ್ಕೂ ಅಧಿಕ ಮೃತಪಟ್ಟಿರುವ ಸಾಧ್ಯತೆಗಳು ಹೆಚ್ಚಿವೆ ಎಂದು ಹೇಳಿದ್ದು ಇವರ ಮಾಹಿತಿಯನ್ನು ಆದರಿಸಿ ವಿಶೇಷ ತನಿಖೆ ಮಾಡಬೇಕು ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆಗ್ರಹಿಸಿದೆ.
ಖರ್ಗೋನ್ ಜಿಲ್ಲೆಯ ಬದ್ವಾ ಪ್ರದೇಶದ ನರ್ಮದಾ ನದಿ ತೀರದಲ್ಲಿರುವ ಅಕ್ವೆಡಕ್ಟ್ ಸೇತುವೆಯ ಸಮೀಪ ಈ ಘಟನೆ ಬೆಳಕಿಗೆ ಬಂದಿದ್ದು ಅರಣ್ಯ ಇಲಾಖೆಯು ಸೇತುವೆಯ ಸುತ್ತಮುತ್ತ ಹಕ್ಕಿಗಳಿಗೆ ಆಹಾರ ನೀಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ. ಸದ್ಯ ಹಕ್ಕಿಗಳ ಸಾವಿಗೆ ನಿಖರ ಕರಣ ತಿಳಿಯಲು ಹಕ್ಕಿಗಳ ಅವಶೇಷಗಳನ್ನು ಜಬಲ್ಪುರಕ್ಕೆ ಕಳುಹಿಸಲಾಗಿದೆ. ಸದ್ಯ ಅರಣ್ಯ ಇಲಾಖೆ ಮತ್ತು ಪಶುವೈದ್ಯಕೀಯ ತಂಡಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿವೆ.
ಇನ್ನೊಂದು ಮುಖ್ಯ ವಿಚಾರ ಏನೆಂದರೆ ಪಕ್ಷಿಗಳಿಗೆ ಮನುಷ್ಯರು ಸೇವಿಸುವ ಎಣ್ಣೆ ಪದಾರ್ಥ ಅಥವಾ ಬೇಯಿಸಿದ ಆಹಾರ ನೀಡುವುದು ಅವುಗಳ ಜೀರ್ಣಾಂಗ ವ್ಯವಸ್ಥೆಯ ಮೇಲೆ ಮಾರಕ ಪರಿಣಾಮ ಬೀರುತ್ತದೆ ಎಂದು ಪಶುವೈದ್ಯಕೀಯ ಅಧಿಕಾರಿ ಡಾ. ಮನಿಷಾ ಚೌಹಾಣ್ ಹೇಳಿದ್ದಾರೆ. ಏನೇ ಆದರೂ ನೂರಾರು ಗಿಳಿಗಳು ಸಾವನ್ನಪಿರುವುದು ಮಾತ್ರ ದುರಂತ.
ಈ ಸಂದರ್ಭದಲ್ಲಿ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ, ಹಿರಿಯ ಉಪಾಧ್ಯಕ್ಷರಾದ ಗುರುರಾಜ್ ಹೂಗಾರ್, ಉಪಾಧ್ಯಕ್ಷರಾದ ಯೋಗೀಶ್ ಕುಮಾರ್, ರುದ್ರಮುನಿ, ಡಾ.ಸಿದ್ದಲಿಂಗಪ್ಪ, ಮತ್ತು ಪದಾಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

-
ದಿನದ ಸುದ್ದಿ3 days ago2.5 ಕೋಟಿ ಖರೀದಿಯಲ್ಲಿ ಅವ್ಯವಹಾರ ; ಆಯುಕ್ತೆ ಮಂಜುಶ್ರೀ ಸೇರಿ 6 ಅಧಿಕಾರಿಗಳ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ6 days agoದಾವಣಗೆರೆ | ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬೆಂಕಿ ರಹಿತ ಕುಕಿಂಗ್ ಕಾರ್ಯಕ್ರಮ
-
ದಿನದ ಸುದ್ದಿ6 days agoಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ : ಕೂಡಲೇ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ
-
ದಿನದ ಸುದ್ದಿ3 days agoದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಸಮಾರೋಪ ಸಮಾರಂಭ
-
ಅಂಕಣ2 days agoಪ್ರಜಾಪ್ರಭುತ್ವ: ಸಮಾನತೆ, ಸಾಮಾಜಿಕ ನ್ಯಾಯ ಮತ್ತು ನೈತಿಕ ಹೊಣೆಗಾರಿಕೆ
-
ಕ್ರೀಡೆ6 days agoಹಿರಿಯ ಕ್ರಿಕೆಟ್ ಪಟು ಎನ್ಆರ್ಎಚ್ ರಮೇಶ್ ನಿಧನ
-
ದಿನದ ಸುದ್ದಿ2 days agoದಾವಣಗೆರೆ| ಅಪರಿಚಿತರು ನೀಡಿದ ಟೆಲಿಗ್ರಾಮ್ ಲಿಂಕ್ ಕ್ಲಿಕ್ ಮಾಡಿ 14 ಲಕ್ಷ ಕಳೆದುಕೊಂಡ ಉಪನ್ಯಾಸಕ
-
ದಿನದ ಸುದ್ದಿ3 days agoಮಾನಸಿಕ ಆರೋಗ್ಯ ಅರಿವು ಅಗತ್ಯ : ಡಾ. ಪ್ರಭು ಎಂ. ಬಿಸ್ಲೇರಿ



