ಅಂತರಂಗ
ಅರಿಮೆಯ ಅರಿವಿರಲಿ – 24 : ಅರಿವಿನ ಅಂಗಳ ಯಾವುದು..?
- ಯೋಗೇಶ್ ಮಾಸ್ಟರ್
ವ್ಯತ್ಯಾಸವರಿದ ಸ್ವ-ಭಾವಗಳ ಪ್ರದರ್ಶನ
ಒಬ್ಬ ವ್ಯಕ್ತಿಯು ತನ್ನ ಗುರಿ ಸಾಧಿಸಲು ಅವನಿಗೆ ಆತ್ಮವಿಶ್ವಾಸವಿರಬೇಕು. ತನ್ನನ್ನು ತಾನು ಮಾನ್ಯ ಮಾಡಿಕೊಳ್ಳುವಂತಹ, ತನ್ನ ಮೌಲ್ಯವನ್ನು ತಾನು ಗುರುತಿಸಿಕೊಳ್ಳುವಂತಹ ಆತ್ಮಗೌರವವಿರಬೇಕು. ಟೀಕೆಗಳನ್ನು, ಹಿಂದಕ್ಕೆ ಸೆಳೆಯುವ ಶಕ್ತಿಗಳನ್ನು ಮೀರಿ ಮುಂದಕ್ಕೆ ಹೋಗುವಂತಹ ಹಟವಿರಬೇಕು. ಯಾವ ಪ್ರಲೋಭನೆಗಳಿಗೆ ಮಣಿಯದೇ ದೃಢವಾಗಿ ನಿಲ್ಲುವಂತಹ ಸ್ವಾಭಿಮಾನವಿರಬೇಕು. ಹೌದು, ಇವೆಲ್ಲವೂ ಮೌಲ್ಯಗಳೇ. ವ್ಯಕ್ತಿಗತವಾಗಿ ಅಥವಾ ಸಾಮಾಜಿಕವಾಗಿ ಅತ್ಯುತ್ತಮವಾದುದನ್ನು ಸಾಧಿಸಲು ಇವೆಲ್ಲವೂ ಇರಬೇಕು. ಇದೆಲ್ಲವೂ ಮೇಲರಿಮೆಯೇ?
ಸ್ವಾಭಿಮಾನವಿರಬೇಕು ನಿಜ. ಆದರೆ ಅಹಂಕಾರವಿರಬಾರದು. ಸ್ವಾಭಿಮಾನ ಆರೋಗ್ಯವಾದ, ನೈತಿಕವಾದ, ಸಶಕ್ತವಾದ ಮನಸ್ಥಿತಿ. ಅಹಂಕಾರ ಮನೋರೋಗ. ಆತ್ಮಾಭಿಮಾನದಲ್ಲಿ ತನ್ನ ಬಗ್ಗೆ ಗೌರವವಿರುತ್ತದೆ, ಆದರೆ ಇತರರಿಗೂ ತನ್ನಂತೆಯೇ ಆತ್ಮಾಭಿಮಾನವಿರುವುದು, ಅದನ್ನು ನಾವು ಗೌರವಿಸಬೇಕು ಎಂಬ ಅರಿವಿರುತ್ತದೆ. ಆದರೆ ಮೇಲರಿಮೆಯಲ್ಲಿ ತಾನಷ್ಟೇ ಗೌರವಾನ್ವಿತ ವ್ಯಕ್ತಿಯಾಗಿರುತ್ತೇನೆ. ಉಳಿದವರು ನಾನು ಪಡೆಯುವಷ್ಟು ಗೌರವಕ್ಕೆ ಅರ್ಹರಲ್ಲ ಎಂಬ ಭಾವವಿರುತ್ತದೆ. ಹೆಮ್ಮೆ ಎಂಬುದು ಮಾಡಿರುವ ಕೆಲಸವೊಂದು ಸಫಲವಾದಾಗ ಸಾರ್ಥಕತೆಯ ಅಥವಾ ತೃಪ್ತಿಯನ್ನು ಪಡೆದಂತಹ ಸಂತೋಷ. ತನ್ನನ್ನು ತಾನು ಅಭಿನಂದಿಸಿಕೊಳ್ಳುವಂತಹ ಪ್ರೋತ್ಸಾಹ.
ಆದರೆ ಮೇಲರಿಮೆಯಲ್ಲಿ ತಾನು ಸಾಧಿಸದಿದ್ದರೂ ಸಾಧಿಸಿರುವಂತೆ ಬೀಗುವ ವ್ಯಸನ. ತನ್ನಿಂದ ಕೆಲಸವು ಆಗಿರದಿದ್ದರೂ ಆಗಿರುವಂತೆ ಭ್ರಮಿಸುವ ಒಂದು ಗೀಳು. ಹೆಮ್ಮೆ ತನ್ನನ್ನು ತಾನು ಹುರಿದುಂಬಿಸಿಕೊಳ್ಳುವಂತಹ ಸಂತೋಷವಾದರೆ, ಅಹಂಕಾರ ನಾನೇ ಮಾಡಿರುವುದು ಆದ್ದರಿಂದ ನಾನು ಉಳಿದವರಿಗಿಂತ ಮೇಲು ಎಂಬ ಭಾವ ರೋಗಗ್ರಸ್ತ.
ಇಷ್ಟು ಅರಿವಿಗಿರಲಿ. ನಾನು ಎಂಬ ಭಾವವು ತನ್ನತನದ ಸಾಂಕೇತಿಕ ಪ್ರತಿನಿಧಿ. ನಾನೇ ಎನ್ನುವುದು ಮೇಲರಿಮೆಯ ಉತ್ಪನ್ನವಾದ ಅಹಂಕಾರದ ಪ್ರದರ್ಶನ.
ವ್ಯಕ್ತಿಗತವಾಗಿ ತಮ್ಮ ವಿಷಯದಲ್ಲಿ ಮಾತ್ರವಲ್ಲ, ಧರ್ಮ, ಸಂಸ್ಕೃತಿ, ಜಾತಿ ಮತ್ತು ರಾಷ್ಟ್ರೀಯತೆಯ ವಿಷಯಗಳಲ್ಲಿ ಬಹಳಷ್ಟು ಜನರು ತಮ್ಮ ಅಹಂಕಾರವನ್ನು ಸ್ವಾಭಿಮಾನವೆಂದೂ, ಅರಿಮೆಯನ್ನು ಅರಿವೆಂದೂ, ಒಣಜಂಭವನ್ನು ಹೆಮ್ಮೆಯೆಂದೂ ಭಾವಿಸಿರುತ್ತಾರೆ.
ಆತ್ಮಾಭಿಮಾನದ ಮಾನದಂಡ
ಇಲ್ಲೊಂದು ಸರಳವಾದ ಮಾನದಂಡವಿರಲಿ, ಯಾರು ತಮ್ಮ ವಿಷಯಗಳು ಇತರೆಲ್ಲಾ ವಿಷಯಗಳಿಗಿಂತ ಶ್ರೇಷ್ಟವೆನ್ನುತ್ತಾರೋ, ತಮ್ಮದರ ಶ್ರೇಷ್ಟತೆಯನ್ನು ಎತ್ತಿ ಹಿಡಿಯಲು ಇತರರದನ್ನು ಅವಹೇಳನ ಮಾಡುತ್ತಾ ಹೋಲಿಸುತ್ತಿರುತ್ತಾರೋ, ತಮ್ಮದನ್ನು ಬಿಟ್ಟರೆ ಬೇರೊಂದು ಇಲ್ಲವೇ ಇಲ್ಲ ಎಂಬುದಾಗಿ ಭ್ರಮಾಧೀನರಾಗಿರುತ್ತಾರೋ ಅವರಗಿ ಸಾಮುದಾಯಿಕ ಮೇಲರಿಮೆಯ ರೋಗವಿದೆ ಎಂದು ಅರ್ಥ.
ತನ್ನತನದ ಅರಿವಿನ ಪ್ರಜ್ಞೆಯಲ್ಲಿ ಒಬ್ಬನಿಗೆ ತನ್ನ ಶಕ್ತಿ, ಸಾಮರ್ಥ್ಯ, ದೌರ್ಬಲ್ಯ, ಜ್ಞಾನ, ಅಜ್ಞಾನ, ಇತಿಮಿತಿ ಎಲ್ಲವೂ ತಿಳಿದಿರುತ್ತದೆ. ತನ್ನ ಶಕ್ತಿ ಮತ್ತು ಸಾಮರ್ಥ್ಯಕ್ಕೆ ಅನುಗುಣವಾಗಿ ವರ್ತಿಸುತ್ತಾನೆ, ಚಿಂತಿಸುತ್ತಾನೆ, ಮಾತಾಡುತ್ತಾನೆ, ಪ್ರದರ್ಶಿಸುತ್ತಾನೆ ಮತ್ತು ಕೆಲಸಗಳನ್ನು ಮಾಡುತ್ತಾನೆ.
ಅದೇ ಅಹಂಕಾರದ ಮೇಲರಿಮೆಯ ವ್ಯಕ್ತಿಯು ತನ್ನ ಶ್ರೇಷ್ಟತೆಯ ಭಾವದಲ್ಲಿ ಉನ್ಮತ್ತನಾಗಿರುತ್ತಾನೆ, ಅಮಲಿನಲ್ಲಿರುತ್ತಾನೆ, ಅಪ್ರಜ್ಞಾವಸ್ಥೆಯಲ್ಲಿರುತ್ತಾನೆ. ತನ್ನ ಅರಿಮೆಯ ಅಮಲಿನ ಅನುಗುಣವಾಗಿ ತನ್ನ ಅವೈಚಾರಿಕತೆಯನ್ನು ಅನಾವರಣಗೊಳಿಸಿಕೊಳ್ಳುತ್ತಿರುತ್ತಾನೆ.
ಈ ಅರಿಮೆಯದ್ದೇ ಅಮಲು ಜೀವನ ಪೂರ್ತಿ ಸಾಕಾಗುವಷ್ಟಿರುತ್ತದೆ, ಎದುರಿರುವವರಿಗೆ ಸಾಕುಸಾಕಾಗಿರುತ್ತದೆ; ಅದರಲ್ಲಿ ಮಾದಕ ದ್ರವ್ಯಗಳನ್ನು, ಮತ್ತೇರಿಸುವಂತಹ ಮದ್ಯಗಳನ್ನು ತೆಗೆದುಕೊಂಡರಂತೂ ಮುಗಿದೇ ಹೋಯಿತು. ನೀವು ಗಮನಿಸಿರುತ್ತೀರಿ. ಕೆಲವರು ಮದ್ಯ ಸೇವನೆ ಮಾಡುವಾಗ, ಮದ್ಯವು ಒಳಗೆ ಹೋಗುಹೋಗುತ್ತಿದ್ದಂತೆ ಹೆಚ್ಚು ಮಾತಾಡಲು ಪ್ರಾರಂಭಿಸುತ್ತಾರೆ. ಇದರ ಅರ್ಥ ಕುಡಿತವೆಂಬುದು ಅವರ ಮಾತಿನ ಕಾರಣವಲ್ಲ. ಅದು ನೆಪವಷ್ಟೇ. ಅವರ ಅರಿಮೆಯ ಪ್ರದರ್ಶನ ಅಲ್ಲಿ ಪ್ರಾರಂಭವಾಗುತ್ತದೆ. ತಾನು ಎಷ್ಟು ಗ್ರೇಟ್ ಎಂಬುದು ಬಹಳಷ್ಟು ಸಲ, ಬಹಳಷ್ಟು ಮಂದಿಯಲ್ಲಿ ಕಾಣುವುದು. ನಾನು ಹೀಗೆ ಮಾಡಿದೆ, ನಾನು ಹಾಗೆ ಮಾಡಿದೆ, ನಾನಿಲ್ಲದೇ ಹೋಗಿದ್ದರೆ ಆ ಕೆಲಸ ಆಗುತ್ತಲೇ ಇರಲಿಲ್ಲ.
ನಾನಾಗಿದ್ದಕ್ಕೆ ಸಹಿಸಿಕೊಂಡೆ, ನಾನು ಬಿಟ್ಟಿದ್ದಕ್ಕೆ ಅವನು ಉಳಿದುಕೊಂಡ, ನಾನೇನಾದರೂ ಮನಸ್ಸು ಮಾಡಿದ್ದರೆ ಅವನ ಕತೆ ಮುಗಿದುಹೋಗಿರುತ್ತಿತ್ತು. ನಾನು ನಾನು ನಾನು… ಅರಿಮೆಯೇ ಒಂದು ಅಮಲು, ಅದಕ್ಕೆ ಪೂರಕವಾಗಿ ಮತ್ತು ಪ್ರೇರಕವಾಗಿ ಮದ್ಯದ ಅಮಲೂ ಸೇರಿದರೆ! ಮತ್ತೆ ಕೆಲವರು ತಲೆ ತಿರುಗಿ ಬೀಳುವಷ್ಟು ಕುಡಿಯುವುದೇ ಇಲ್ಲ. ಅವರಿಗೆ ಇತಿಮಿತಿಗಳಿರುತ್ತವೆ. ಪಾರ್ಟಿಯಲ್ಲಿ ಅವರ ಕೆಲಸ ಇತರರ ಪ್ರದರ್ಶನ ಕಲೆಗಳನ್ನು ನೋಡುತ್ತಿರುವುದು. “ಹಾ, ಹೇಳಿ, ಹೇಳಿ, ಹೌದು ಹೌದು” ಎಂದು ಗ್ರೇಟುಗಳ ಪರಾಕುಗಳಿಗೆ ತಲೆಯಾಡಿಸುತ್ತಾ, ಒಳಗೊಳಗೇ ನಗುತ್ತಾ ಮಜ ತೆಗೆದುಕೊಳ್ಳುವುದು ಮಾತ್ರವಲ್ಲ ಕೆಲಸ. ಆ ಗ್ರೇಟು ಮತ್ತು ಈ ಗ್ರೇಟುಗಳೆರಡೂ ಸ್ಟಾರ್ ವಾರ್ ಮಾಡಲು ಮುಂದಾದಾಗ ಇಬ್ಬರನ್ನೂ ಪ್ರತ್ಯೇಕ ಪ್ರತ್ಯೇಕವಾಗಿ ಕರೆದು ನೀನೇ ಗ್ರೇಟು – ಆ ಕ್ಷುಲ್ಲಕನನ್ನು ಬಿಟ್ಟು ಬಿಡು ಎಂದು ಯುದ್ಧಸಂಧಾನ ಮಾಡಿಸುವವರು ಕೂಡಾ ಆಗಿರುತ್ತಾರೆ.
ಕುಡಿಯುವವರಿಗೆ ತಾನಷ್ಟು ಕುಡಿಯುತ್ತೇನೆ ಅವನಿಗೆ ಕುಡಿಯಲಾಗುವುದಿಲ್ಲ ಎಂಬ ಮೇಲರಿಮೆಯಾದರೆ, ತನ್ನೆಷ್ಟೇ ಸೆಳೆದರೂ ತಾನು ಕುಡಿಯುವುದಿಲ್ಲ ಎಂದು ಕುಡುಕರ ಮುಂದೆ ಕುಡಿಯದಿರುವವರ ಮೇಲರಿಮೆ.
ಒಟ್ಟಾರೆ ಮೇಲರಿಮೆಗಳ ರೋಗ ಮೇಲಾಗುವುದು ಇವು ಮೇಲರಿಮೆಗಳೆಂದು ತಿಳಿದಾಗಲೇ.
ಜ್ಞಾನಕೇಂದ್ರಗಳ ಅಜ್ಞಾನ
ಸಾಮಾನ್ಯವಾಗಿ ಯಾವುದೇ ಅರಿಮೆಗಳನ್ನು ಮಕ್ಕಳಲ್ಲಿ ಸ್ಪಷ್ಟವಾಗಿ ಗುರುತಿಸಲು ಸಾಧ್ಯವಾಗುವುದು ಶಿಕ್ಷಣ ಸಂಸ್ಥೆಗಳಲ್ಲಿ. ಸಾಮಾನ್ಯವಾಗಿ ಸಾಮಾಜಿಕ ಸಂಸ್ಥೆಗಳಲ್ಲಿ ವಿವಿಧ ಬಗೆಯ ಹಿನ್ನೆಲೆಗಳನ್ನು ಹೊಂದಿರುವಂತಹ ವ್ಯಕ್ತಿಗಳನ್ನು ನೋಡುತ್ತೇವೆ. ಅವರಿಗೆ ಪ್ರತಿಕ್ರಿಯಿಸುವ ಮತ್ತು ಸ್ಪಂದಿಸುವ ಪ್ರಕ್ರಿಯೆಯಲ್ಲಿ ಮಕ್ಕಳಲ್ಲಿರುವ ಅರಿಮೆಗಳ, ವ್ಯಕ್ತಿತ್ವಗಳ ಮತ್ತು ಧೋರಣೆಗಳ ಅನಾವರಣವಾಗುತ್ತವೆ.
ಮನೆಯಲ್ಲಾದರೆ ಸೀಮಿತ ಸದಸ್ಯರ ಮಾದರಿಗಳಿದ್ದು, ಹೊಂದಾಣಿಕೆ, ಅನುಸರಣಿಕೆ ಮತ್ತು ಸ್ವೀಕಾರಗಳು ಅನಿವಾರ್ಯವಾಗಿರುತ್ತವೆ. ಹಾಗಾಗಿಯೇ ಶಿಕ್ಷಕರ ಬಹಳ ಮುತುವರ್ಜಿಯಿಂದ ಮಕ್ಕಳಲ್ಲಿ ಅರಿಮೆಗಳನ್ನು ಗುರುತಿಸುವಂತಹ ಕೈಂಕರ್ಯವನ್ನು ಮಾಡಬೇಕಾಗುತ್ತದೆ. ಮಕ್ಕಳಲ್ಲಿ ಇರುವಂತಹ ಮಾನಸಿಕ ಸಮಸ್ಯೆಗಳನ್ನು ಗುರುತಿಸಿ ಅದನ್ನು ಪೋಷಕರ ಗಮನಕ್ಕೂ ತರುವಂತಹ ಕೆಲಸವಾದರೆ ಆಗ ಕುಟುಂಬದ ಸದಸ್ಯರಲ್ಲಿ ಇರುವಂತಹ ಮಾನಸಿಕ ಸಮಸ್ಯೆಗಳೂ, ವ್ಯಕ್ತಿತ್ವದ ಪುರಾವೆಗಳೂ, ಧೋರಣೆ (ಅಟಿಟ್ಯೂಡ್) ಗಳ ಮಾದರಿಗಳೂ ಗಮನಕ್ಕೆ ಬರುತ್ತವೆ. ಈ ಮೂಲಕ ಇಡೀ ಕುಟುಂಬವನ್ನೇ ಆರೋಗ್ಯಕರ ಮನಸ್ಥಿತಿಗೆ ಒಯ್ಯುವ ಸಾಮುದಾಯಕ ಕಾರ್ಯ ಮಾಡಿದಂತಾಗುತ್ತದೆ.
ಹಾಗಾದಾಗ ಮಾತ್ರ ಶೈಕ್ಷಣಿಕ ಪರಿಸರವು ವ್ಯಕ್ತಿತ್ವವಿಕಸನ ಕಾರ್ಯದಲ್ಲಿ ಬಹಳ ಮಹತ್ತರ ಪಾತ್ರವನ್ನು ವಹಿಸಿದಂತಾಗುತ್ತದೆ. ಒಂದೊಂದು ಪ್ರದೇಶದಲ್ಲಿ ಸ್ಥಾಪಿತವಾಗಿರುವಂತಹ ಶಿಕ್ಷಣ ಸಂಸ್ಥೆಗಳು ತಮ್ಮ ಸುತ್ತಮುತ್ತ ಇರುವ ಕುಟುಂಬಗಳ ಸದಸ್ಯರ ವ್ಯಕ್ತಿತ್ವ, ವ್ಯಕ್ತಿಗತ ಮೌಲ್ಯ, ವರ್ತನೆಗಳು, ಕ್ರಿಯೆ ಮತ್ತು ಪ್ರತಿಕ್ರಿಯೆಗಳೆಲ್ಲವೂ ಸಾಮಾಜಿಕ ಜೀವನದ ಮೇಲೆ ಪ್ರಭಾವವನ್ನು ಬೀರುತ್ತಿರುತ್ತವೆ ಎಂಬಂತಹ ಬಹಳ ಸ್ಪಷ್ಟವಾದ ದೃಷ್ಟಿಯನ್ನು ಹೊಂದಿದ್ದು ಮಕ್ಕಳ ಮೂಲಕ ಕೆಲಸ ಮಾಡುವಂತಾದರೆ ಮಾತ್ರ ಮಾನಸಿಕ ಆರೋಗ್ಯವುಳ್ಳ ಸಮಾಜವನ್ನು ನಿರ್ಮಿಸಲು ಸಾಧ್ಯ.ಮಕ್ಕಳಿಗೆ ಶಿಕ್ಷಣ ನೀಡುವುದು ಒಂದು ನೆಪ. ಸ್ವಾಸ್ಥ್ಯ ಸಮಾಜದ ನಿರ್ಮಾಣ ಶಿಕ್ಷಣ ಸಂಸ್ಥೆಗಳ ಗುರಿ.
ಮಗುವೊಂದು ರ್ಯಾಂಕ್ ಪಡೆದು, ಉತ್ತಮ ಕೆಲಸವೊಂದನ್ನು ಪಡೆದು, ಹೆಚ್ಚಿನ ಆದಾಯದಲ್ಲಿ ಆರಾಮವಾಗಿ ವಿಲಾಸೀ ಜೀವನ ನಡೆಸಿಕೊಂಡಿದ್ದರೆ ಸಾಮಾಜಿಕ ಸಂಸ್ಥೆಯಾದ ಶಾಲೆಯ ಗುರಿ ಏನು? ವ್ಯಕ್ತಿಯೊಬ್ಬನು ತನ್ನ ವ್ಯಕ್ತಿಗತವಾದ ಸುಖವನ್ನು ಪಡೆದುಕೊಂಡು ಸಾಮಾಜಿಕವಾಗಿಯೂ ಹಿತವುಂಟು ಮಾಡಬೇಕು. ಏಕೆಂದರೆ ಅವನು ಸಂಘಜೀವಿ, ಸಾಮಾಜಿಕ ಪಶು.
ಮಕ್ಕಳ ಭಿನ್ನವಾದ ಹಿನ್ನೆಲೆಗಳು ತಾವು ವಾಸಿಸುವ ಸಮಾಜ ಮತ್ತು ಜಗತ್ತಿನ ಬಗ್ಗೆ ಭಿನ್ನವಾದಂತಹ ದೃಷ್ಟಿಗಳನ್ನೇ ಹೊಂದಿರುತ್ತಾರೆ. ಕೆಲವು ಮಕ್ಕಳು ಹೊಸ ಅನುಭವಕ್ಕೆ ಮತ್ತು ತಿಳುವಳಿಕೆಗೆ ತೆರೆದುಕೊಂಡಂತೆ ಮತ್ತೆ ಕೆಲವು ಮಕ್ಕಳು ಅವುಗಳಿಂದ ಹಿಂದಕ್ಕೆ ಸರಿಯುತ್ತಾರೆ. ಅಂತೆಯೇ ದೃಷ್ಟಿಗಳಲ್ಲಿರುವ ಮೇಲರಿಮೆ ಮತ್ತು ಕೀಳರಿಮೆಗಳನ್ನು ತಮ್ಮ ವರ್ತನೆ ಮತ್ತು ಧೋರಣೆಗಳ ಮೂಲಕ ವ್ಯಕ್ತಪಡಿಸುತ್ತಿರುತ್ತಾರೆ. ಮಕ್ಕಳು ವಯಸ್ಕರಾಗಿ ಸಶಕ್ತರಾದಾಗ ಅವು ಆಚರಣೆಗೂ ಬರುತ್ತವೆ.
ಅವುಗಳು ಆಕ್ರಮಣಕಾರಿಯಾಗಿರಬಹುದು, ಆಡಂಬರದಿಂದ ಕೂಡಿರಬಹುದು, ಅವೈಜ್ಞಾನಿಕ ಮತ್ತು ಅವೈಚಾರಿಕತೆಯಿಂದಲೂ ವಿರೋಧಾಭಾಸದ ನಡೆಗಳಿಂದಲೂ ಕೂಡಿರಬಹುದು. ಆ ವ್ಯಕ್ತಿಗಳು ತಮ್ಮ ಕುಟುಂಬಕ್ಕೂ ಮತ್ತು ಸಮಾಜಕ್ಕೂ ಕಾಣ್ಕೆಗಳನ್ನು ನೀಡುವ ಬದಲು ಕಾಟಗಳಾಗಿ ಕಾಡಲು ಪ್ರಾರಂಭಿಸುತ್ತಾರೆ. ಇದೆಲ್ಲಾ ಕಾರಣಗಳಿಂದಾಗಿಯೇ ಅರಿವಿನ ಅಂಗಳವಾದ ಶಿಕ್ಷಣ ಸಂಸ್ಥೆಗಳಲ್ಲಿ ಅರಿಮೆಗಳನ್ನು ಬೆಳೆಯಗೊಡಬಾರದು.
ಆದರೆ ಇವುಗಳ ಅರಿವಿಲ್ಲದ ಕಾರಣ, ದೂರದೃಷ್ಟಿ ಮತ್ತು ಸೂಕ್ಷ್ಮದೃಷ್ಟಿಗಳಿಲ್ಲದ ಕಾರಣ ಆ ಹೊತ್ತಿನ ಶೈಕ್ಷಣಿಕ ಸಾಧನೆಗಳನ್ನು ಮಾತ್ರವೇ ಗಣನೆಗೆ ತೆಗೆದುಕೊಂಡು ಮಕ್ಕಳಿಗೆ ಶಿಕ್ಷಣ ನೀಡುತ್ತಾರೆ. ಅದರ ಫಲವೇ ವಿದ್ಯಾವಂತರಾದವರೂ, ಸುಶಿಕ್ಷಿತರಾಗಿರುವವರೂ, ಉನ್ನತ ಹುದ್ದೆಗಳಲ್ಲಿರುವವರೂ ಕೂಡಾ ಅಪರಾಧಿಗಳಾಗುತ್ತಾರೆ. ಸಂಬಂಧಗಳ ಮತ್ತು ಸಮಾಜದ ಸ್ವಾಸ್ಥ್ಯವನ್ನು ಕೆಡಿಸುತ್ತಿದ್ದಾರೆ.
ವಿದ್ಯಾವಂತರಲ್ಲೂ, ಸುಶಿಕ್ಷಿತರಲ್ಲೂ ಲಿಂಗತಾರತಮ್ಯಗಳನ್ನು, ಮತೀಯ ಭಾವನೆಗಳಲ್ಲಿ ಶ್ರೇಷ್ಟತೆಯ ವ್ಯಸನಗಳನ್ನು ನೋಡುತ್ತಿರುವ ಕಾರಣ ಇದೇ.
ಶಾಲೆಗಳ ಹಂತಗಳಲ್ಲಿಯೇ ಮಕ್ಕಳಲ್ಲಿ ಅರಿಮೆಗಳನ್ನು ಗುರುತಿಸುವಂತಹ ಕೆಲಸಗಳ ಜೊತೆಯಲ್ಲಿ ಸ್ವಾವಲಂಬನ, ಅನುಸರಣೆ, ಆಸರೆಯಾಗುವ ಗುಣ, ಗುಣಗ್ರಾಹಿಗಳಾಗುವುದು, ಪರೋಪಕಾರ ಮತ್ತು ಮುಂದಾಳುತನಗಳನ್ನು ಪ್ರೋತ್ಸಾಹಿಸುವಂತಹ ಕೆಲಸಗಳಾದರೆ ಮಾತ್ರ ಪ್ರಮುಖವಾಗಿರುವ ಸಾಮಾಜಿಕ ಸಂಸ್ಥೆಯಾಗಿರುವ ಶಾಲೆಗಳು ಸ್ವಾಸ್ಥ್ಯ ಜನಸಮುದಾಯಗಳನ್ನು ಮತ್ತು ಸಂರಚನಾತ್ಮಕ ಸಮಾಜಗಳನ್ನು ರೂಪಿಸುವಂತಹ ತಮ್ಮ ಜವಾಬ್ದಾರಿಯನ್ನು ನಿರ್ವಹಿಸಿದಂತಾಗುತ್ತದೆ.
(ಮುಂದುವರೆಯುವುದು)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು
~ ಯೋಗೇಶ್ ಮಾಸ್ಟರ್
ಮೆಟ್ಟಿಲುಗಳ ಮೇಲೆ ನಿಂತು ದಿಟ್ಟಿಸುತ್ತಿರುವವನ ನೋಡುಗರು ಏನೆಂದು ತಿಳಿದಾರು? ಹತ್ತುತ್ತಿರುವನೆಂದೋ, ಇಳಿಯುತ್ತಿರುವನೆಂದೋ? ಯಾರೇನಾದರೂ ಅಂದುಕೊಳ್ಳಲಿ ಹೊರಗೆ ಹತ್ತುತ್ತಿರುವವನು ಇಳಿಯುತ್ತಿರಬಹುದು. ಇಳಿಯುತ್ತಿರುವವನು ಹತ್ತುತ್ತಿರಬಹುದು.
ಈಗ ಯಾರೂ ನೋಡುತ್ತಿಲ್ಲ. ನಾನು ಹತ್ತುತ್ತಿರುವೆನೋ ಇಳಿಯುತ್ತಿರುವೆನೋ ಯಾರೂ ನೋಡುತ್ತಿಲ್ಲ. ಯಾರೊಬ್ಬರೂ ಇಲ್ಲದಿರುವಾಗಲೂ ನಾನು ನನಗೆ ಪ್ರಾಮಾಣಿಕವಾಗಿ ಇರದಿದ್ದರೆ? ‘ಆತ್ಮಾರಾಮ್, ಈಗೇನು ನೀನು ಏರುತ್ತೀಯೋ, ಇಳಿಯುತ್ತೀಯೋ?’ ಬೇರೊಬ್ಬರು ಕೇಳುವ ಪ್ರಶ್ನೆಗಳಿಗೆ ಉತ್ತರಿಸಿಬಿಡಬಹುದು. ನಾನೇ ಹಾಕಿಕೊಳ್ಳುವ ಪ್ರಶ್ನೆಗೆ ನಾನೇ ಉತ್ತರಿಸುವ ಧೈರ್ಯ ಅಷ್ಟು ಸುಲಭದಲ್ಲಿ ಬರುವುದಿಲ್ಲ.
ನೂರಾರು ಆಪ್ತ ಸಮಾಲೋಚನೆಗಳಲ್ಲಿ ಸಾವಿರಾರು ಪ್ರೊಜೆಕ್ಟಿವ್ ಪ್ರಶ್ನೆಗಳನ್ನು ಕೇಳಿದ್ದೇನೆ. ನನಗೆ ನಾನೇ ಪ್ರೊಜೆಕ್ಟ್ ಮಾಡುವ ಪ್ರಶ್ನೆಯನ್ನು ನಾನು ಹಾಕಿಕೊಳ್ಳಲು ಇದುವರೆಗೂ ಆಗಿಲ್ಲ.
ಇವತ್ತು ಹಾಕಿಕೊಂಡೆ. ಅದ್ಯಾಕೋ ಮೆಟ್ಟಿಲುಗಳು ನನ್ನ ಪ್ರಶ್ನಿಸಿದವು. ಹೇ ಆತ್ಮಾರಾಮ್, ಈಗೇನು? ನೀನು ಏರುತ್ತೀಯೋ? ಇಳಿಯುತ್ತೀಯೋ?’ ಏರಿದ್ದೇನೆಂದುಕೊAಡು ಇಳಿದಿರುವ ನಾನು ಹೇಗೆ ಉತ್ತರಿಸಲಿ? ಮೆಲ್ಲನೆ ಕುಳಿತುಬಿಟ್ಟೆ.
ಹೌದು, ಈ ಮೆಟ್ಟಿಲುಗಳು ಬರೀ ಏರಲಲ್ಲ, ಇಳಿಯಲೂ ಅಲ್ಲ. ಕುಳಿತುಕೊಳ್ಳಲೂ ಹೌದು.
ಒಳಗಿರುವ ಮಾತುಗಳು ಹೊರಗೆಡವಲೂ ಅಲ್ಲ, ಒಳಗೆ ನುಂಗಿಕೊಳ್ಳಲೂ ಅಲ್ಲ. ಆದರೆ ಅವು ಬಹುಕಾಲದಿಂದ ಕಾಯುತ್ತಲೇ ಇವೆ. ಕಾದು ಕಾದು ಬಿಸಿಯೇರಿದೆ. ಈಗ ಹೊರಗೆಡಬೇಕು ಅಥವಾ ನುಂಗಬೇಕು. ಹಾಗೆಯೇ ತಣ್ಣಗಾಗುವ ಬಗೆಯೇನಾದರೂ ಇದೆಯಾ?
ನೋಡುಗರ ಕಣ್ಣಲ್ಲಿ ನಾನೊಂದು ಪರಮ ಶಾಂತಿ. ಆದರೆ ಅದು ನನ್ನೊಳಗೆ ಬರೀ ಭ್ರಾಂತಿ. ಒಳಗೆ ಪದೇ ಪದೇ ಪ್ರತಿಧ್ವನಿಸುತ್ತಿರುವ ಸದ್ದುಗಳ ಸೊಲ್ಲಡಗಿಸಿ ಸುಮ್ಮನಿರಿಸಲು ಹೇಗಾದೀತು? ಆಪ್ತ ಸಮಾಲೋಚನೆಗೆ ಬಂದವರು ಇದನ್ನು ಹೇಳಿದರೆ, “ಪದೇ ಪದೇ ಆಲೋಚನೆಗಳು ಬರುತ್ತಿದ್ದರೆ ಅದನ್ನು ಚಿಂತಾಚಕ್ರ ಅಥವಾ ಡಿumiಟಿಚಿಣioಟಿ ಎನ್ನುತ್ತೇವೆ. ಅದರಿಂದ ನೀವು ಹೊರಗೆ ಬರಬೇಕು” ಎಂದು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟು ಕಳುಹಿಸುತ್ತಿದ್ದೆ. ಆದರೆ ನನಗೆ ನಾನು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟುಕೊಳ್ಳಲು ಆಗದು.
ಸದ್ದಿಲ್ಲದ ಹಗಲಲ್ಲಿ, ಸದ್ದಡಗಿದಾಗ ರಾತ್ರಿಯಲ್ಲಿ ಹಳೆಯ ಮಾತುಕತೆಗಳು, ತಪುö್ಪಗಳು, ಬೇಸರಗಳು, ಪಶ್ಚಾತ್ತಾಪಗಳು ಮತ್ತು ವೈಫಲ್ಯಗಳು ಹಿಂದೆ ಹಿಂದೆಯೇ ಕಡಲ ತಡಿಗೆ ಬಂದಪ್ಪಳಿಸುವ ತಡೆಯಲಾಗದ ಅಲೆಗಳಾಗಿರುತ್ತವೆ. ಬೆಳಗಾದಾಗ ಗತ್ಯಂತರವಿಲ್ಲದೇ ಮಾಡುವ ಗದ್ದಲದಲ್ಲಿ ರಾತ್ರಿಗಾಗಿ ಕಾಯುತ್ತಾ ಒಳಗವಿತಿರುವ ಹೆಗ್ಗಣಗಳಂತೆ, ಜಿರಳೆಗಳಂತೆ ಅದೆಲ್ಲೋ ಬಿದ್ದಿರುತ್ತವೆ. ರಾತ್ರಿಯಾದರೆ ಸಾಕು ಮೆದುಳೆಂಬ ಒಡಕಲು ಪ್ರೊಜೆಕ್ಟರ್ ತನ್ನ ಮಾಸಲು ಸಿನಿಮಾವನ್ನು ತಂತಾನೆ ತೋರಿಸಲಾರಂಭಿಸುತ್ತವೆ.
ಅವರಿಗೆ ಇವರಿಗೆ ನಾನು ಹೇಳುವುದು ಅದೆಷ್ಟು ಕಪಟತನದ್ದು!
‘ಇದು trap of overthinking. ನೀವು ಹೊರಗೆ ಬರಬೇಕು.’
ನನಗೇ ಅವನ್ನು ನೋಡಿಕೊಳ್ಳಲು ಆಗಿಲ್ಲ. ನೋಡಿಕೊಳ್ಳಲು ಆಗಿಲ್ಲ ಎನ್ನುವುದಕ್ಕಿಂತ ನೋಡಿಕೊಳ್ಳಲು ಭಯ. ನನಗೆ ನನ್ನ ಮೇಲೆಯೇ ಜಿಗುಪ್ಸೆ ಬಂದುಬಿಟ್ಟೀತೆAಬ ಭಯ. ಆದರೆ ನೋಡಿಕೊಂಡರೆ ಬಾಧೆ ನಿವಾರಣೆಯಾಗಬಹುದು. ಚಿಂತಾಚಕ್ರ ತಿರುಗುತ್ತಿದ್ದಂತೆ, ಬಹುಕಾಲ ತಿರುಗುತ್ತಲೇ ಇದ್ದಂತೆ ಸವೆಯುವುದು. ಆ ಸವಕಳಿ ಚಿಂತಾಚಕ್ರವನ್ನು ಇಲ್ಲವಾಗಿಸದು. ಆದರೆ ಅದು ಸುತ್ತಲು ಮಧ್ಯದ ಕೀಲಾಗಿರುವ ನನ್ನ ಬಳಲಿಸುವುದು.
ಆ ಬಳಲಿಕೆಯೇ ನನ್ನ ವಯಸ್ಸಿಗಿಂತ ಹೆಚ್ಚು ಆಯಸ್ಸಾದಂತೆ ಕಾಣಿಸುವುದು. ಇರುವುದಕ್ಕಿಂತ ದೇಹ ಭಾರವಾಗಿರುವುದು.
ಹೌದಲ್ಲಾ, ಏರುತ್ತಲೋ, ಇಳಿಯುತ್ತಲೋ ಹೆಣಗಾಡುವ ಬದಲು ಕುಳಿತಾದ ಅಂದೆತದ್ದೋ ಪ್ರಶಾಂತತೆ ಒದಗಿದೆ ಇಂದು! ನನಗೆ ನಾನೇ ಹಳೆಯ ಸ್ನೇಹಿತನಾಗಿ ಕುಳಿತುಕೊಂಡು ನನ್ನದೇ ಮಾತುಗಳಿಗೆ ನಾನೇ ಕಿವಿಯಾಗುವ ಸರತಿ ಇಂದು ಒದಗಿತೇ?
ನನಗೆ ನಾನೇ ಹೇಳಿಕೊಳ್ಳುವುದು ಪರಕೀಯವೆನ್ನಿಸಿದರೂ ಒಂದಿಷ್ಟು ಉಸಿರಾಡಲು ಸರಾಗವೆನಿಸಿದೆ. ಕೈ ಮುಷ್ಟಿಗಟ್ಟಿದರೂ ಒಳಗೇ ಸಡಿಲವಾಯಿತು. ಮಡಿಸಿದ ಮೊಣಕೈ ತೊಡೆಯ ಮೇಲೆ ಒತ್ತುವುದನ್ನು ನಿಲ್ಲಿಸಿ ಹಗುರವಾಗಿ ಹತ್ತಿಯಂತೆ ಊರಿತು. ಮಧ್ಯಾಹ್ನದಲ್ಲೂ ತಂಗಾಳಿಯು ಮುಖಕ್ಕೆ ಮುತ್ತಿಡತೊಡಗಿತು.
ನಾಳೆ ಈ ಚಿಂತಾಚಕ್ರ ಮತ್ತೆ ತಿರುಗಣಿಯಾಗಬಹುದೇನೋ. ಆದರೆ ಚಿಂತೆಗಳ ನಡುನಡುವೆ ಒಂದಿಷ್ಟು ಉಸಿರುತೆಗೆದುಕೊಳ್ಳಲು ಸಾಧ್ಯವಾಗಿದ್ದು, ಏರುವುದನ್ನು, ಇಳಿಯುವುದನ್ನು ಬಿಟ್ಟು ಈ ಮೆಟ್ಟಿಲುಗಳ ಮೇಲೆ ಕೂತಿದ್ದಕ್ಕೆ.
‘ಹೌದು ಕಣೋ ಆತ್ಮಾ, ಹೌದು!’

ಅಂತರಂಗ
ಡಾ. ಆತ್ಮಾರಾಮನ ಆತ್ಮನಿವೇದನೆ ; ಒಳಗನ್ನಡಿಯಲ್ಲಿ ಮೌನದ ಮುಖ
~ಯೋಗೇಶ್ ಮಾಸ್ಟರ್, ಚಿಂತಕರು
ಆಪ್ತ ಸಮಾಲೋಚಕ ಮತ್ತು ಮನೋವೈದ್ಯ
ಹಾಗಂತಿರುವ ನನ್ನ ಮನೆಯ ಮುಂದಿನ ನನ್ನ ಪರಿಚಯ. ಅದನ್ನೇ ನಾನೆಂದು ತಿಳಿದಿರುವ ಹೊರಗಿನವರಿಗೆಲ್ಲಾ ನನ್ನೊಳಗಿರುವ ಅಪರಿಚಿತನ ಹೇಗೂ ಕಾಣಲಾಗದು.
ಲೋಕ ಕಾಣುವ ಅಥವಾ ನಾನು ತೋರುವ ಮುಖದ ಮುಸುಕನ್ನು ಸರಿಸಿ ಇಣುಕುವಷ್ಟು ಯಾರಿಗಾದರೂ ಅದೆಷ್ಟು ಬಿಡುವಿರುವುದು! ಪರದೆಯ ಮೇಲಿನ ಡಾ. ಆತ್ಮಾರಾಮನ ನೆರಳಿನಾಟವನ್ನು ಮೆಚ್ಚುವರು, ಹೊಗಳುವರು, ತೆಗಳುವರು, ತಿರಸ್ಕರಿಸುವರು; ಅವರವರ ಕಣ್ಣುಗಳ ಅಭಿರುಚಿಗೆ ತಕ್ಕಂತೆ.
ಪರರ ರುಚಿಗೆ ಎಟಕುವುದು ಚಹರೆಗಳೇ ತಾನೇ! ಅವರ ಕಣ್ಣುಗಳಿಂದಲೇ ನನ್ನ ನಾನು ಕಂಡುಕೊಳ್ಳಲು ಅಥವಾ ಕಾಣಿಸಿಕೊಳ್ಳಲು ಸಾಕಾಗಿ ನನ್ನ ಕಣ್ಣುಗಳು ಮುಚ್ಚಿಕೊಂಡವು. ಅದೆಷ್ಟೋ ಹೊತ್ತು ಹಾಗಿದ್ದೆನೋ!
ಚಹರೆಗಳ ನೆರಳುಗಳನ್ನು ನುಂಗಿಕೊAಡ ಕಣ್ಣೊಳಗಿನ ಕತ್ತಲೆಯಲ್ಲಿ ಬೆತ್ತಲೆಯಾಗಿರುವುದು ಸುಖ. ಅದು ನಿರಾಳತೆಯ ಸುಖ. ತರಾವರಿ ತೊಡುಗೆಗಳ ತೂಕವನಿಳಿಸಿಕೊಂಡ ನಿರಾತಂಕದ ನೆಮ್ಮದಿ. ಕತ್ತಲು; ಅದೆಷ್ಟು ಆಳ! ಗೂಢತೆಗಳ ಮೇಳವದೆಷ್ಟಿದ್ದರೂ ತೋರ್ಪಡಿಸಿಕೊಳ್ಳುವ ಕಾತುರವಿಲ್ಲದ ನಿರಹಂಕಾರದ ನಿರಾಳತೆ!
ಬೆಳಕಿನದೇ ಸಮಸ್ಯೆ. ಅದರಲ್ಲದೆಷ್ಟು ಬಣ್ಣಗಳು, ಬಣ್ಣನೆಗಳು. ವ್ಯತ್ಯಾಸಗಳು, ವ್ಯತ್ಯಯಗಳು. ಸಮೀಕರಣಗಳು, ಅಸಮಾನತೆಗಳು. ಉಪಮೆಗಳು, ಉದಾಹರಣೆಗಳು. ಸಾಧಾರಣಗಳು, ಅಸಾಧರಣಗಳು. ಅಸೂಯೆಗಳು, ಆಯಾಸಗಳು. ಕತ್ತಲು ನೆಮ್ಮದಿ. ಮುಚ್ಚಿರುವ ಕಣ್ಣೊಳಗಿನ ಕತ್ತಲಿನಲ್ಲಿ ಕಾಣತೊಡಗಿದ ನನ್ನ ಬಿಂಬವನ್ನು ನೋಡುತ್ತಲೇ ಕುಳಿತುಬಿಟ್ಟೆ. ಹೌದಲ್ಲಾ, ಇಷ್ಟು ಕಾಲ ಮುಚ್ಚಿಟ್ಟಿದವರೇ ಈಗ ಬಿಚ್ಚಿಡುತ್ತಿದ್ದಾರೆ.
ಹೌದು, ಮನಸ್ಸೆಂಬುದೇ ಹಾಗೆ. ಅದು ತನಗೆ ತಾನೇ ತೊಂದರೆಯನ್ನು ಉಂಟುಮಾಡಿಕೊಳ್ಳುತ್ತದೆ. ತಾನೇ ಗೋಗರೆಯುತ್ತದೆ. ತಾನೇ ಸಹಾಯವನ್ನು ನಿರಾಕರಿಸುತ್ತದೆ. ತಾನೇ ಗೋಳಿಡುತ್ತದೆ. ತಾನೇ ಸಂತೈಸುತ್ತದೆ.
ತಿಕ್ಕಲು, ತಾನೇ ಹಾಳು ಮಾಡುವುದು, ತಾನೇ ಗೋಳಿಡುವುದು, ತಾನೇ ಸರಿ ಮಾಡುವುದು. ಈಗ ಸರಿಮಾಡಿಕೊಳ್ಳುವ ಮಗ್ಗುಲಿಗೆ ತಿರುಗಿಕೊಂಡಿದೆ. ಸರಿ ಹೋಗಿಬಿಡಲಿ.
ಸರಿ ಹೋಗುವುದೋ ಬಿಡುವುದೋ, ಸರಿಯಿಲ್ಲ, ಸರಿ ಮಾಡಬೇಕಾಗಿದೆ ಅಂತ ಗೊತ್ತಾಯಿತಲ್ಲಾ ಅಷ್ಟೇ ಸಾಕು.
ರೋಗವಿದೆ ಎಂಬ ಅರಿವು ಬಹುದೊಡ್ಡ ಉಪಶಮನ. ರೋಗವನ್ನೇ ಆರೋಗ್ಯವೆಂದು ಭಾವಿಸಿದ್ದು, ಈಗ ರೋಗ ಎಂದು ತಿಳಿಯಿತಲ್ಲಾ, ಅದೇ ಗುಣಮುಖವಾಗುವ ಮುನ್ಸೂಚನೆ.
ಇಷ್ಟೂ ದಿನಗಳ ಕಾಲ ಕನ್ನಡಿಯೊಳಗೆ ಮುಖ ನೋಡಿಕೊಳ್ಳುತ್ತಿದ್ದದ್ದು, ಇತರರಿಗೆ ಹೇಗೆ ಕಾಣಿಸುತ್ತೇನೆ, ಹೇಗೆ ಕಾಣಿಸಬೇಕು ಎಂದು. ಆದರೆ ಇಂದು ಕತ್ತಲಿನ ಕನ್ನಡಿಯಲ್ಲಿ ಕಾಣುತ್ತಿರುವ ಮುಖದ ಒಳಗಿನ ಮೌನ ತನ್ನ ಗುರುತಿನ ಪರದೆಯನ್ನು ಹರಿಯುತ್ತಿದೆ. ಯಾವ ಅಡಿಗಿದ್ದ ಮೌನ ನನ್ನಾತ್ಮದ ಕವಚವಾಗಿತ್ತೋ ಅದು ಕಾರಾಗೃಹವೆನಿಸಿ ಉಸಿರುಕಟ್ಟಿಸಿದ್ದು ಒಳ್ಳೆಯದೇ ಆಯಿತು.
ಮೌನ ದನಿಯಾಗುತ್ತಿದೆ. ದನಿ ಬನಿಯಾಗುತ್ತಿದೆ.
ಹಾಗಾಗಿಯೇ ಬೆಳಕಿನಲ್ಲಿ ವಿವಿಧ ಬಣ್ಣಗಳನ್ನು ಹಚ್ಚಿ ಬಣ್ಣಿಸಿದ್ದ ಎಲ್ಲಾ ಸಂಬAಧಗಳು, ಸಂಗತಿಗಳು, ಸಂವಹನಗಳು, ಸಂಘರ್ಷಗಳು ಈಗ ನೆನಪಿನ ನೆರಳುಗಳಾಗಿ ಆಳವಾದ ಕತ್ತಲಲ್ಲಿ ಬಣ್ಣ, ಬಣ್ಣನೆಗಳನ್ನು ಕಳೆದುಕೊಂಡಿವೆ.
ಅವರಿವರ ಮನಸ್ಸುಗಳ ಮಸುಕು ಮಾಡುವ ಮುಸುಕುಗಳ ತೆಗೆಯಲು ಸಹಕರಿಸುತ್ತಿದ್ದವನಿಗೆ ಸ್ವಸಹಾಯ ಮಾಡಿಕೊಳ್ಳಲು ಅದೇ ಮನಸ್ಸು ಮನಸ್ಸು ಮಾಡಿದೆ. ಆಗಲಿ, ಅದೂ ಆಗಿ ಹೋಗಲಿ.
ಮನೋವೈದ್ಯ ತನ್ನೊಳಗಿನ ರೋಗವನ್ನು ಪತ್ತೆ ಮಾಡಿಕೊಳ್ಳಲಿ. ಆಪ್ತ ಸಮಾಲೋಚಕ ತನ್ನಿರುವಿಗೆ, ತನ್ನಾಳಕೆ ಒಂದಿಷ್ಟು ಕಾಲ ಆಪ್ತನಾಗಿರುವ ಅವಕಾಶವನ್ನು ದಕ್ಕಿಸಿಕೊಳ್ಳಲಿ. ಮೌನವನ್ನು ಓದುವ ಓರಗೆಯವರಿದ್ದಾರೆ. ಓದಲಿ.
ವೈದ್ಯನೊಬ್ಬ ತಾನು ರೋಗಿಯಾಗಿರಲಿಲ್ಲ, ಅಥವಾ ತನಗೆ ರೋಗ ಬರುವುದಿಲ್ಲ ಎನ್ನುವುದು ಆತ್ಮವಂಚನೆ. ತನಗೆ ತಾನು ವಂಚಿಸಿಕೊಳ್ಳುವವನು ಜಗತ್ತಿನ ಯಾರೊಂದಿಗೆ ವಿಶ್ವಾಸವನ್ನು ಸಂಚಯ ಮಾಡಿಯಾನು!
ಮತ್ತೆ ಸಿಕ್ಕಿದನವನು ಮೌನದಲಿ
ಕಳೆದಿದ್ದವನು ಗದ್ದಲದಲಿ
ಗಾಯಗಳು ಮರೆತಿವೆ
ನೋವಿಲ್ಲದ ಕಲೆಗಳ ಹಿಂದೆ
ಪ್ರತಿ ಉಸಿರು ಆಸೆಗಳ ಬಸಿರು
ಹೆರಲಾಗದೆ ಘನವಾದ ಕಣ್ಣೀರು
ಕರಗುವುದೊಮ್ಮೆ ಹೆಪುö್ಪಗಟ್ಟಿದ ಕಾರ್ಮೋಡ
ಸುರಿವುದಲ್ಲಿ ಒಳಗಣ್ಣಿಂದ ಮಳೆಯು ನೋಡ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ದಿಮಾಗಿ ನಕ್ಸಲ್-ನಗರ ನಕ್ಸಲ್
~ರಹಮತ್ ತರೀಕೆರೆ, ಚಿಂತಕರು
ಕಾರ್ನಾಡರಲ್ಲಿ ನನಗೆ ಮೊದಲಿಂದಲೂ ವೈಯಕ್ತಿಕ ಸಂಪರ್ಕ ಇರಲಿಲ್ಲ. ಅನಂತಮೂರ್ತಿ ಅವರಂತೆ ಅವರು ಕಿರಿಯ ಲೇಖಕರ ಜತೆ ನಂಟಿರಿಸಿಕೊಂಡವರಲ್ಲ. ಯಾರಿಗಾದರೂ ಮುನ್ನುಡಿ ಬರೆದಿದ್ದೂ ನನಗೆ ತಿಳಿದಿಲ್ಲ. ತಾವಾಯಿತು ತಮ್ಮ ಬರೆಹ, ಸಿನಿಮಾ ಆಯಿತು ಎಂದಿದ್ದವರು. ಮಹಾರಾಷ್ಟ್ರದಲ್ಲಿ ಹುಟ್ಟಿ, ಜೀವಿತದ ಬಹುಕಾಲ ಕರ್ನಾಟಕದ ಹೊರಗಿದ್ದ ಅವರು, ಕರ್ನಾಟಕದ ಸಾರ್ವಜನಿಕ ಕಾರ್ಯಕ್ರಮಗಳಲ್ಲೂ ಹೆಚ್ಚು ಕಾಣಿಸಿದವರಲ್ಲ. ಸಮಕಾಲೀನರಾದ ತೇಜಸ್ವಿ ಲಂಕೇಶ್ ಅನಂತಮೂರ್ತಿ ಅವರಂತೆ ಪಬ್ಲಿಕ್ ಇಂಟಲೆಕ್ಚುವಲ್ ಕೆಲಸವನ್ನು ಮೈಮೇಲೆ ಹಾಕಿಕೊಂಡು, ಕರ್ನಾಟಕದ ಕಷ್ಟದ ದಿನಗಳಲ್ಲಿ ತಮ್ಮ ಮಾತು ಭಾಷಣ ಬರೆಹಗಳಿಂದ ಜನಾಭಿಪ್ರಾಯ ರೂಪಿಸಿದವರಲ್ಲ.
ಹೀಗಿದ್ದ ಕಾರ್ನಾಡರು ಬಾಳಿನ ಕೊನೆಯ ವರ್ಷಗಳಲ್ಲಿ ಆಶ್ಚರ್ಯಕರವಾಗಿ ಬದಲಾದರು; ಸಾರ್ವಜನಿಕ ಮಹತ್ವದ ಪ್ರಸಂಗಗಳಲ್ಲಿ ಮಾತಾಡಿದರು. ಹಠಬಿದ್ದಂತೆ ಬೀದಿಗಿಳಿದರು. ಈ ರೂಪಾಂತರಕ್ಕೆ ಕಾರಣ, ಪ್ರಭುತ್ವಗಳು ರಾಜಕೀಯ ಸೈದ್ದಾಂತಿಕ ಭಿನ್ನಮತಗಳನ್ನು ದಮನಿಸುವ ನಡೆಗಳಿರಬಹುದು; ಅನಂತಮೂರ್ತಿ ತೇಜಸ್ವಿ ಲಂಕೇಶ್ ತೀರಿಕೊಂಡ ಬಳಿಕ, ಉಂಟಾದ ರಿಕ್ತತೆ ಅವರನ್ನು ಈ ಹೊಸ ಪಾತ್ರ ನಿರ್ವಹಿಸುವಂತೆ ಆಹ್ವಾನಿಸಿರಬಹುದು. ಅವರು ತಮ್ಮ ಮಾತು, ಕೃತಿ, ಕ್ರಿಯೆಗಳಲ್ಲಿ ಭಾರತವನ್ನು ಆವರಿಸುತ್ತಿರುವ ಮತೀಯತೆ ಕುರಿತು ವ್ಯಗ್ರರಾಗಿದ್ದರು.
ಅವರು ಮಾಡಿದ ಸಾರ್ವಜನಿಕ ಪ್ರತಿರೋಧದ ಪ್ರಕರಣಗಳನ್ನು ಗಮನಿಸಬೇಕು. ಬಾಬರಿ ಮಸೀದಿಯ ಧ್ವಂಸವನ್ನು ವಿರೋಧಿಸಿದ್ದು; ನೈಪಾಲರ ಬಲಪಂಥೀಯವಾದ ಬೆಂಬಲಿಸುವ ನಿಲುವನ್ನು ಖಂಡಿಸಿದ್ದು; ಬಾಬಾಬುಡನಗಿರಿ ಚಳುವಳಿಯಲ್ಲಿ ಭಾಗವಹಿಸಿದ್ದು; ಟಿಪ್ಪು ನೆನಪಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು; ಟಿಪ್ಪು ಕುರಿತು ನಾಟಕ ಬರೆದಿದ್ದು; ಎಂ. ಎಫ್. ಹುಸೇನರ ಸೃಜನಶೀಲತೆ ಪರವಾಗಿ ನಿಂತಿದ್ದು; ಗೋರಕ್ಷಣೆ ಹೆಸರಲ್ಲಿ ನಡೆಯುತ್ತಿರುವ ಉಪಟಳ ವಿರೋಧಿಸಿ `ನಮ್ಮ ಆಹಾರ ನಮ್ಮ ಹಕ್ಕು’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು. ಇಲ್ಲಿನ ಕೊನೆಯ ಕಾರ್ಯಕ್ರಮದಲ್ಲಿ ಅವರೊಟ್ಟಿಗೆ ಅನಂತಮೂರ್ತಿಯವರೂ ಇದ್ದರು. ಭಾರತದಲ್ಲಿ ಇಬ್ಬರು ಜ್ಞಾನಪೀಠ ಲೇಖಕರು ಇಂತಹದೊಂದು ಸಾರ್ವಜನಿಕ ಪ್ರತಿರೋಧದ ಕಾರ್ಯಕ್ರಮದಲ್ಲಿ ಒಟ್ಟಿಗೆ ಭಾಗವಹಿಸಿದ್ದು ಅಪೂರ್ವ ಸಂಗತಿ.
ನನಗೆ ಅವರ ಜತೆ ಮೊದಲ ಮುಖಾಬಿಲೆ ಆಗಿದ್ದು ಬಾಬಾಬುಡನಗಿರಿಗೆ ಮಾಡಿದ ಪಯಣದಲ್ಲಿ. ಸೂಫಿಗಳ ಮೇಲೆ ತುಸು ಅಧ್ಯಯನ ಮಾಡಿದವನೆಂದು ನನ್ನನ್ನು ಅವರೊಟ್ಟಿಗೆ ಕೂರಿಸಲಾಗಿತ್ತು. ಅವರ ಗಂಭೀರ ಸ್ವಭಾವದ ಬಗ್ಗೆ ತಿಳಿದಿದ್ದ ನಾನು, ಅವರಾಗಿ ಏನಾದರೂ ಕೇಳಿದರೆ ಮಾತ್ರ ಹೇಳಬೇಕೆಂದು, ಸಹಪಯಣದ ಖುಶಿಯನ್ನು ಅನುಭವಿಸುತ್ತ ಜತೆಗೆ ಕೂತಿದ್ದೆ. ಗಿರಿಯನ್ನು ವಾಹನ ಹತ್ತುವಾಗ, ನೆತ್ತಿಮೇಲಣ ಶಿಖರಗಳನ್ನೂ ಕೆಳಗಿನ ಕಣಿವೆಗಳನ್ನೂ ನೋಡುತ್ತ ಕಾರ್ನಾಡರು `ಓಹ್ ಎಷ್ಟೊಂದು ಸುಂದರವಾಗಿದೆಯಲ್ಲ’’ ಎಂದು ಉದ್ಗರಿಸುತ್ತ ಮಗುವಿನಂತೆ ಪುಟಿಯುತ್ತಿದ್ದರು.
ಅವರೊಬ್ಬ ಸೆಲೆಬ್ರಿಟಿಯಾದರೂ ಸರಳವ್ಯಕ್ತಿ. ಅಭಿನಯ ಅವರ ವೃತ್ತಿಯಾದರೂ ವ್ಯಕ್ತಿಯಾಗಿ ತೋರಿಕೆಯೇ ಇಲ್ಲದ ನೇರಗುಣದವರು. ಗೋಕರ್ಣದಲ್ಲಿ ನಡೆದ ಗೌರೀಶ ಕಾಯ್ಕಿಣಿಯವರ ಶತಮಾನೋತ್ಸವ ಕಾರ್ಯಕ್ರಮದಲ್ಲಿ ನಮ್ಮನ್ನು ತೋಟದ ಮನೆಯೊಂದರಲ್ಲಿ ಉಳಿಸಲಾಗಿತ್ತು. ಕಾರ್ನಾಡರು ನನಗಿಂತಲೂ ವೈದ್ಯೆಯಾದ ನನ್ನ ಮಗಳ ಜತೆ ಹೆಚ್ಚು ಮಾತನಾಡಿದರು. ಆದಿನ ನಾನು ಅವರ `ಆಡಾಡ್ತಾ ಆಯುಷ್ಯ’ ಒಳಗೊಂಡಂತೆ (ಬೆರಗು ಹುಟ್ಟಿಸುವ ಭಾಷೆಯುಳ್ಳ ವಿಶಿಷ್ಟ ಗದ್ಯಶೈಲಿಯ ಕೃತಿಯಿದು) ಕನ್ನಡದ ಆತ್ಮಕತೆಗಳ ಬಗ್ಗೆ ಉಪನ್ಯಾಸ ಮಾಡಿದೆ. ಬಸಳೆಸೊಪ್ಪಿನ ಹೊರೆಯನ್ನು ಅವರ ಕೈಯಿಂದ ಉಡುಗೊರೆ ಕೊಡಿಸಲಾಯಿತು. ಉಪನ್ಯಾಸದ ಬಳಿಕ ಕಾರ್ನಾಡರು ಕೇಳಿದರು: “ಭಾರತದ ಮೊಟ್ಟಮೊದಲ ಆತ್ಮಕಥೆ `ಅರ್ಧಕಥಾನಕ’ ಓದಿದ್ದೀರಾ?” “ಇಲ್ಲ” “ನೀವು ಓದಲೇಬೇಕು. ಅಪರೂಪದ ಪುಸ್ತಕ. 16ನೇ ಶತಮಾನದ್ದು’’. ಬೆಂಗಳೂರಿಗೆ ಹೋದೊಡನೆ ನೆರಳಚ್ಚನ್ನು ಕಳಿಸಿಕೊಟ್ಟರು. ವ್ಯವಹಾರ ಪ್ರಜ್ಞೆಯಿಲ್ಲದವನೂ ಕಾವ್ಯಪ್ರೇಮಿಯೂ ಆದ ಜೈನ ವ್ಯಾಪಾರಿಯೊಬ್ಬನ ರೋಚಕ ಅನುಭವಗಳ ಕಥನವದು.
ಹೀಗೆ ಸಣ್ಣಗೆ ಆರಂಭವಾದ ಪರಿಚಯ `ಅಮೀರಬಾಯಿ ಕರ್ನಾಟಕಿ’ ಪುಸ್ತಕದ ಸನ್ನಿವೇಶದಲ್ಲಿ ಧಕ್ಕೆಗೊಳಗಾಯಿತು. ನಾನು ಅಮೀರಬಾಯಿ ಸಂಶೋಧನೆಗೆಂದು ಪುಣೆ ಮುಂಬೈ ತಿರುಗಾಡುವಾಗ, ಮಹಾರಾಷ್ಟ್ರದಲ್ಲಿ ಕಾರ್ನಾಡರಿಗೆ ಸಿನಿಮಾ ಮತ್ತು ಸಾಹಿತ್ಯ ಕ್ಷೇತ್ರದಲ್ಲಿರುವ ಮರ್ಯಾದೆಯನ್ನು ಗಮನಿಸಿದ್ದೆ. ಮರಾಠಿ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾಡಿದ ದಿಟ್ಟ ಭಾಷಣವು-ಅದರಲ್ಲಿ ರಾಜಕೀಯ ಪಕ್ಷಗಳು ಸೈನೀಕರಣಗೊಳ್ಳುವುದರ ಬಗ್ಗೆ ಕಟುವಾದ ವಿಮರ್ಶೆಯಿದೆ- ಅಲ್ಲಿನ ಲೇಖಕರು ನೆನಪಿಟ್ಟಿದ್ದರು. ಕನ್ನಡ-ಮರಾಠಿ ಸಾಂಸ್ಕøತಿಕ ಬಾಂಧವ್ಯದ ಕೊಂಡಿಯಾಗಿದ್ದ ಅಮೀರಬಾಯಿ ಕುರಿತ ಹೊತ್ತಗೆಯನ್ನು ಅವರೇ ಬಿಡುಗಡೆ ಮಾಡಿದರೆ ಚೆನ್ನವೆನಿಸಿತು. ಹೇಗೂ `ಸಾಹಿತ್ಯ ಸಂಭ್ರಮ’ದ ಕಾರ್ಯಕ್ರಮಕ್ಕಾಗಿ ದಿನ ಮೊದಲೇ ಧಾರವಾಡಕ್ಕೆ ಬರುತ್ತಿದ್ದರು. ಹಿಂದಿನ ದಿನ ಸಂಜೆ ಬಿಡುಗಡೆ ಮಾಡಲು ಸಾಧ್ಯವೇ ಎಂದು ಕೇಳಿದೆ. ಕೂಡಲೇ ಒಪ್ಪಿದರು.
ಆದರೆ ಸಾಹಿತ್ಯ ಸಂಭ್ರಮ ಕಾರ್ಯಕ್ರಮದ ಸ್ವರೂಪದ ಬಗ್ಗೆ ಭಿನ್ನಮತ ವ್ಯಕ್ತಪಡಿಸಿ ನಾನು ಭಾಗವಹಿಸದೆ ಹೊರಗುಳಿದೆ. ಕಾರ್ನಾಡರು ಕರೆ ಮಾಡಿ “ನೀವು ಸಂಭ್ರಮಕ್ಕೆ ಬರಲು ನಿರಾಕರಿಸಿದರಂತೆ. ನಿಜವೇ?’’ ಎಂದು ಕೇಳಿದರು. ಹೌದೆಂದೆ. `ಹಾಗಿದ್ದಲ್ಲಿ ನಿಮ್ಮ ಕಾರ್ಯಕ್ರಮಕ್ಕೆ ಬರಲಾರೆ, ಕ್ಷಮಿಸಿ’ ಎಂದರು. `ಆಗಲಿ’ ಎಂದೆ. ಅವರಿಗೆ ತಾನು ಹಾಗೆ ಮಾಡಿದ್ದು ಸರಿಯಲ್ಲ ಅನಿಸಿರಬೇಕು. ಧಾರವಾಡದಲ್ಲಿರುವ ತಮ್ಮ ಒಡನಾಡಿ ಸುರೇಶ ಕುಲಕರ್ಣಿಯವರೊಟ್ಟಿಗೆ ತಮ್ಮ ಚಡಪಡಿಕೆ ಹಂಚಿಕೊಂಡರಂತೆ. ಆದರೆ ನಾನು ಕಾರ್ಯಕ್ರಮ ಮುಗಿದ ಬಳಿಕ ಪುಸ್ತಕದ ಗೌರವಪ್ರತಿ ಕಳಿಸಿಕೊಟ್ಟೆ. ಚೆನ್ನಾಗಿ ಬಂದಿದೆ ಎಂದು ಪತ್ರ ಬರೆದರು. ಅವರು ಆ ಘಟನೆಯನ್ನು ಮನಸ್ಸಿನಲ್ಲಿ ಇಟ್ಟುಕೊಂಡಂತೆ ಕಾಣಲಿಲ್ಲ. ತಮ್ಮ ಪರಿಚಿತರು ಯಾರಾದರೂ ಹಂಪಿ ನೋಡಬಯಸಿದರೆ, ನನ್ನ ಸಲಹೆ ಪಡೆಯಲು ಹೇಳುತ್ತಿದ್ದರು. ಒಮ್ಮೆ ಅವರ ನಾಟಕಗಳಲ್ಲಿ ನಟಿಸುವ ಬಂಗಾಳದ ನಟಿ ಹಂಪಿಯಲ್ಲಿ ಹಣ ಪಾಸ್ಪೋರ್ಟುಳ್ಳ ಪರ್ಸನ್ನು ಕಳೆದುಕೊಂಡರು. ಕಾರ್ನಾಡರು ಕರೆಮಾಡಿ ಆಕೆಗೆ ಬೆಂಗಳೂರಿನ ತನಕ ಬರಲು ಸಹಾಯ ಮಾಡುವುದು ಸಾಧ್ಯವೇ ಎಂದು ಕೇಳಿದರು.
ಸಂವಾದಕ್ಕೆ ಸದರವಾಗಿ ಸಿಗುವ ಲೇಖಕರಲ್ಲದ ಗಿರೀಶ್, ಬಾಳಿನ ಕೊನೆಯ ದಿನಗಳಲ್ಲಿ ತಮ್ಮ ಲಾಗಾಯ್ತಿನ ಸ್ವಭಾವಕ್ಕೆ ಪ್ರತಿಯಾಗಿ, ಸಾಂಸ್ಕøತಿಕ ನಾಯಕತ್ವದ ದನಿ ಮೊಳಗಿಸಿದರು. ತಮಗೆ ತಪ್ಪೆಂದು ಕಂಡ ವಿಷಯಗಳಲ್ಲಿ ಪರಿಣಾಮ ಲೆಕ್ಕಿಸದೆ ದಿಟ್ಟತನದ ನಿಲುವು ತೆಗೆದುಕೊಂಡರು. ತಮ್ಮ ತಾತ್ವಿಕ ರಾಜಕೀಯ ನಿಲುವಿಗೆ ವಿರುದ್ಧವಿರುವ ದೊಡ್ಡ ಸಾಧಕರನ್ನೂ ಲೆಕ್ಕಿಸದೆ ಶಾಬ್ದಿಕ ಹಿಂಸೆಗೆ ಗುರಿಪಡಿಸುವ ಈಚಿನ ಪದ್ಧತಿಗೆ ಬಲಿಯೂ ಆದರು. ಗೌರಿಲಂಕೇಶ್ ಸ್ಮರಣ ಕಾರ್ಯಕ್ರಮಕ್ಕೆ `ನಾನೂ ನಗರ ನಕ್ಸಲ್’ ಎಂದು ಕೊರಳಿಗೆ ಬೋರ್ಡು ಸಿಕ್ಕಿಸಿಕೊಂಡು ಬಂದ ಸನ್ನಿವೇಶ ನೆನಪಾಗುತ್ತಿದೆ. ಅದು ತೀರಾ ನಾಟಕೀಯವಾಗಿತ್ತು. ಆದರೆ ಅವರ ಸ್ಪಷ್ಟತೆ ಧೈರ್ಯ ಸಿಟ್ಟು ಹತಾಶೆ ಆಕ್ಟಿವಿಸಂಗಳ ಆತ್ಯಂತಿಕ ರೂಪಕವಾಗಿತ್ತು. ಆರೋಗ್ಯ ಸರಿಯಿರಲಿಲ್ಲ. ಕೈಯಲ್ಲಿ ಆಮ್ಲಜನಕದ ಸಿಲಿಂಡರನ್ನು ಹಿಡಿದಿದ್ದರು. ಅಪರಾಧಿಗಳ ಕೊರಳಿಗೆ ಫಲಕ ತೂಗುಹಾಕುವುದು ಕ್ರಮವಿದೆ. ಶಿಲುಬೆಗೇರಿದ ಕ್ರಿಸ್ತನ ಕೊರಳಿಗೂ `ನಜರೇತಿನ ಅರಸ’ ಎಂಬ ವ್ಯಂಗ್ಯದ ಫಲಕ ತೂಗಿಸಲಾಗಿತ್ತು. ಆದರೆ ಕಾರ್ನಾಡರು ಇದನ್ನು ಸ್ವತಃ ಧಾರಣಮಾಡಿದ್ದರು. `ವಿಚಾರ ಮಾಡುವುದು, ಪ್ರಭುತ್ವವನ್ನು ವಿಮರ್ಶಿಸುವುದು, ಮತಧರ್ಮದ ಹಿಂಸೆ ಖಂಡಿಸುವುದು ಅಪರಾಧವಾದರೆ ನಾನೂ ಅಪರಾಧಿ’ ಎಂಬ ನಾಟಕೀಯ ತಪ್ಪೊಪ್ಪಿಗೆಯನ್ನು ಅದು ಒಳಗೊಂಡಿತ್ತು. ಜನಪದ ಮಿತ್ ಮತ್ತು ಪುರಾಣಗಳನ್ನು ನಾಟಕಗಳಿಗೆ ದುಡಿಸಿಕೊಂಡ ಕಾರ್ನಾಡರು ನಾಗರಿಕ ಹಕ್ಕುಗಳ ವಿಷಯ ಬಂದರೆ, ಮುಕ್ತ ಸಮಾಜದ ಪರವಾದ ಆಕ್ಸಫರ್ಡ್ ಪದವೀಧರರೇ. ನಾಗರಿಕ ಸಮಾಜವೊಂದರಲ್ಲಿ ಸಹಜವಾಗಿ ಇರಬೇಕಾದ ಸ್ವಾತಂತ್ರ್ಯದ ಪರವಾಗಿ ಅವರು ಸದಾ ಆಲೋಚಿಸುತ್ತಿದ್ದರು. ಫಲಕದಲ್ಲಿರುವ ಬರೆಹವು ಸ್ವಹಸ್ತಾಕ್ಷರದಲ್ಲಿತ್ತು. ದೇಶದ ಸುದ್ದಿಯಾಗಬೇಕೆಂದೇ ಇಂಗ್ಲೀಶಿನಲ್ಲಿತ್ತು. ಅದರಲ್ಲಿ ದೇಶೀಭಾಷೆಯ ಲೇಖಕ ಎಂಬುದನ್ನು ದಾಖಲಿಸುವಂತೆ `ನಾನು ಕೂಡ’ ಎಂಬ ಎರಡು ಪದಗಳು ಕನ್ನಡದಲ್ಲಿದ್ದವು. ಉಸಿರ್ಗಟ್ಟಿಸುವ ಸನ್ನಿವೇಶಕ್ಕೆ ತುಡಿಯುವಂತೆ ಕೈಯಲ್ಲಿ ಆಕ್ಸಿಜನ್ ಸಿಲಿಂಡರಿತ್ತು.
ಅದೊಂದು ಅಭಿಮಾನ ಉಕ್ಕಿಸುವ ಮತ್ತು ಎದೆಕರಗಿಸುವ ಚಿತ್ರ; ಸಮಾಜದ ಹದುಳಕ್ಕಾಗಿ ತನ್ನ ಬೇನೆಯಲ್ಲೂ ಲೇಖಕ ರಿಸ್ಕ್ ತೆಗೆದುಕೊಳ್ಳುವ ಪ್ರತೀಕ. ಕಾರ್ನಾಡರಲ್ಲಿ ಲೆಕ್ಕಾಚಾರ ದ್ವಂದ್ವ ಇರಲಿಲ್ಲ. ಅಂತರಂಗಕ್ಕೆ ಸರಿಯೆನಿಸಿದ್ದನ್ನು ಹೇಳುವ-ಮಾಡುವ ಪ್ರಾಮಾಣಿಕತೆಯಿತ್ತು. ಇದು ಅವರ ಶವಸಂಸ್ಕಾರದಲ್ಲೂ ವ್ಯಕ್ತವಾಯಿತು. ಅವರು ಸತ್ತು ದೊಡ್ಡವರಾದವರು; ಅವರನ್ನು ಕೆಟ್ಟದಾಗಿ ನಡೆಸಿಕೊಂಡು ಬದುಕಿರುವ ನಾವು ಸಣ್ಣವರಾದೆವು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoಬೆಂಗಳೂರು ಕಟ್ಟಡ ತೆರವು ಕಾರ್ಯಾಚರಣೆ: 18 ಅಂತಸ್ತಿನ ಅಪಾರ್ಟ್ಮೆಂಟ್ಗೆ ‘ಡೆಮಾಲಿಷನ್’ ಶುರು!
-
ದಿನದ ಸುದ್ದಿ5 days agoಕಲಬುರಗಿ ಪಾಲಿಕೆಯಲ್ಲಿ ಮತ್ತೆ ಕಾಂಗ್ರೆಸ್ ಮೇಲುಗೈ: ಮೇಯರ್-ಉಪ ಮೇಯರ್ ಸ್ಥಾನವೂ ‘ಕೈ’ ತೆಕ್ಕೆಗೆ!
-
ದಿನದ ಸುದ್ದಿ5 days agoವಾಲ್ಮೀಕಿ ಹಗರಣದ ಕಿಡಿ ಮತ್ತೆ ಬಳ್ಳಾರಿಯಲ್ಲಿ: ನಾಗೇಂದ್ರ ವಿರುದ್ಧ ಜನಾರ್ಧನ ರೆಡ್ಡಿ ವಾಗ್ದಾಳಿ, ಕಾಂಗ್ರೆಸ್ಗೆ ರಾಜೀನಾಮೆ ಸವಾಲು!
-
ದಿನದ ಸುದ್ದಿ2 days agoಬಿಜೆಪಿ ರೈತ ಮೋರ್ಚಾದಿಂದ ಬಂದ್ಗೆ ಕರೆ; ಹಲವು ವೃತ್ತಗಳಲ್ಲಿ ಟೈರ್ಗೆ ಬೆಂಕಿ, ಬೆಂಕಿ ನಂದಿಸಿದ ಪೊಲೀಸರು
-
ದಿನದ ಸುದ್ದಿ6 days agoವೈದ್ಯಕೀಯ ಕಾಲೇಜುಗಳ ಹಾಸ್ಟೆಲ್ ಕ್ಯಾಂಟೀನ್ಗಳಿಗೆ ಅಧಿಕಾರಿಗಳ ಶಾಕ್! 34 ಕ್ಯಾಂಟೀನ್ ಪರಿಶೀಲನೆ, 5ಕ್ಕೆ ನೋಟಿಸ್
-
ದಿನದ ಸುದ್ದಿ6 days agoTrump Oil Deal: ವೆನೆಜುವೆಲಾದ 65 ಬಿಲಿಯನ್ ಬ್ಯಾರೆಲ್ ತೈಲದ ಮೇಲೆ ಅಮೆರಿಕದ ಕಣ್ಣು; ಇದು ವಿಶ್ವದ ಅತಿದೊಡ್ಡ ಡೀಲ್ನಾ?
-
ದಿನದ ಸುದ್ದಿ6 days agoಪಾಕ್ ಗಡಿಯಿಂದ ಡ್ರೋನ್ ಎಂಟ್ರಿ ಶಂಕೆ: ಪೂಂಚ್ನಲ್ಲಿ ಹೈ ಅಲರ್ಟ್, 3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಬೇಟೆ
-
ದಿನದ ಸುದ್ದಿ3 days agoಕುಂದುಕೊರತೆಗಳಿಗೆ ತ್ವರಿತ ಪರಿಹಾರ ನೀಡಲು ಏಕೀಕೃತ ವ್ಯವಸ್ಥೆ; ಶನಿವಾರ ಜನಸಂಪರ್ಕ, ಬುಧವಾರ ಮೂರು ಹಂತದ ಪರಿಶೀಲನೆ

