ಅಂತರಂಗ
ಅರಿಮೆಯ ಅರಿವಿರಲಿ-29 : ಮೌಲ್ಯದ ಮೌಲ್ಯಮಾಪನ
- ಯೋಗೇಶ್ ಮಾಸ್ಟರ್
ಮೌಲ್ಯ ಅಥವಾ ಬೆಲೆ ಎನ್ನುವುದು, ಅದು ತಾತ್ವಿಕವೋ ಅಥವಾ ಲೌಕಿಕವೋ, ಒಟ್ಟಾರೆ ಅದು ಮಾನವನಿಂದ ಆರೋಪಿತವಾಗಿರುವುದು. ಪಾತ್ರ ಅಪಾತ್ರ, ದಯೆ ನಿರ್ದಯೆ, ಔದಾರ್ಯ ಅನೌದಾರ್ಯ, ಪ್ರಾಮಾಣಿಕ ಅಪ್ರಮಾಣಿಕ, ಸದ್ಗುಣ ದುರ್ಗುಣ, ಒಳಿತು ಕೆಡಕು, ಧರ್ಮ ಅಧರ್ಮ; ಈ ದ್ವಂದ್ವ ಪರಿಕಲ್ಪನೆಗಳಾವುವೂ ವಾಸ್ತವವಾಗಿ ನಿಸರ್ಗದಲ್ಲಿ ಇಲ್ಲ. ಆದರೆ ಮಾನವ ನಿರ್ಮಿತ ಸಮಾಜದಲ್ಲಿ ಎಲ್ಲವೂ ಇದೆ. ಎಲ್ಲಿ ದ್ವಂದ್ವಗಳು ಇರುತ್ತವೆಯೋ ಅಲ್ಲಿ ಮಾನಸಿಕ ಸಮಸ್ಯೆಗಳೂ ಇರುತ್ತವೆ. ಸಂಘರ್ಷ, ತುಮುಲ, ದ್ವಂದ್ವ, ಗೊಂದಲ, ಒತ್ತಡ, ಖಿನ್ನತೆ; ಈ ಎಲ್ಲವೂ ಮನೋರೋಗಗಳಿಗೆ ಕಾರಣವೇ.
ಒಂದು ಕಾಲಘಟ್ಟದಲ್ಲಿ ಯಾವುದನ್ನು ಮೌಲ್ಯ ಎಂದು ಭಾವಿಸಿಲಾಗಿರುತ್ತದೆಯೋ ಮನುಷ್ಯನ ಜೀವನ ಕ್ರಮ, ಆಲೋಚನಾ ಕ್ರಮಗಳು ಬದಲಾದಂತೆ ನಾವು ವಸ್ತು ಅಥವಾ ವಿಷಯಗಳಿಗೆ ಆರೋಪಿಸುವ ಮೌಲ್ಯಗಳೂ ಕೂಡ ಬದಲಾಗುತ್ತವೆ. ತೊಟ್ಟಲಿನಲ್ಲಿಯೇ ಮಕ್ಕಳನ್ನು ವಧೂವರರನ್ನಾಗಿಸುವ ಕಾಲಘಟ್ಟವಿತ್ತು.ಹೆಣ್ಣುಮಗುವು ಮೈನೆರೆಯುವ ಮುನ್ನವೇ ಮದುವೆ ಮಾಡಬೇಕಾದ ಕಾಲದಲ್ಲಿ ಬಾಲ್ಯವಿವಾಹ ಸಮಾಜವು ಒಪ್ಪಿತ ವ್ಯವಸ್ಥೆಯಾಗಿತ್ತು. ಆದರೆ ಈಗ ಅದು ಅಪರಾಧ. ಸಾಮಾಜಿಕ ಮೌಲ್ಯಗಳು ಕಾಲದಿಂದ ಕಾಲಕ್ಕೆ ಬದಲಾಗುತ್ತಿರುತ್ತವೆ ಎಂದು ತಿಳಿಯಲು ಇಷ್ಟು ಸಾಕು. ಹೆಚ್ಚು ಹೆಚ್ಚು ಚರ್ಚೆಗಳು ಬೇಡ.
ಹಾಗಾಗಿಯೇ ಸಾಮಾಜಿಕ ಮೌಲ್ಯವೆಂದು, ಸಮಾಜವೋ, ಸಂಸ್ಕೃತಿಯೋ ಒಪ್ಪಬೇಕೆಂದು ಪ್ರಾಣವನ್ನು ಪಣವಾಗಿಟ್ಟು ನಾವು ಎಂದೂ ನಡೆದುಕೊಳ್ಳುವ ಅಗತ್ಯವಿಲ್ಲ. ಆದರೂ ಒಂದು ವಿಷಯವನ್ನು ಗಮನದಲ್ಲಿ ಇರಿಸಿಕೊಂಡು ನಮ್ಮ ನಡವಳಿಕೆಗಳನ್ನು, ಆಲೋಚನೆಗಳನ್ನು, ಕೆಲಸಗಳನ್ನು ಒಂದು ಕ್ರಮಕ್ಕೆ ಒಳಪಡಿಸಿಕೊಳ್ಳಬೇಕಾದ ಅಗತ್ಯವಿದೆ.
ಯಮ ನಿಯಮ
ಒಂದು ಕೆಲಸವು ಸರಾಗವಾಗಿ ನಡೆಯಲು ಅದಕ್ಕೊಂದು ಕ್ರಮಬೇಕು. ಕ್ರಮವಿಲ್ಲದೇ ಹೋದರೆ ಸಾಮಾನ್ಯವಾಗಿ ಆ ಕೆಲಸ ಆಗದು. ಆ ಕೆಲಸದ ಕ್ರಮಕ್ಕೆ ವ್ಯಕ್ತಿಯು ತನ್ನನ್ನು ಬದ್ಧಗೊಳಿಸಿಕೊಳ್ಳುವುದಕ್ಕೆ ಶಿಸ್ತು ಎನ್ನುತ್ತೇವೆ. ಹೀಗೆಂದುಕೊಳ್ಳೋಣ, ನಮ್ಮ ಆಲೋಚನೆಯಲ್ಲಿ ಒಂದು ಕ್ರಮವಿರಲಿ, ಕೆಲಸದಲ್ಲಿ ಒಂದು ಶಿಸ್ತು ಇರಲಿ. ಒಬ್ಬ ವ್ಯಕ್ತಿಯು ತನ್ನ ಮನಸ್ಸನ್ನು, ದೇಹವನ್ನು, ಭಾವನೆಗಳನ್ನು, ಕುಟುಂಬವನ್ನು, ಸಂಬಂಧಗಳನ್ನು ಮತ್ತು ಸಮಾಜದಲ್ಲಿ ತನ್ನ ಇರುವಿಕೆ ಮತ್ತು ಭಾಗವಹಿಸುವಿಕೆಯನ್ನು ಆರೋಗ್ಯವಾಗಿಟ್ಟುಕೊಳ್ಳಲು ಕೆಲವು ಕ್ರಮಗಳನ್ನು ಅನುಸರಿಸಬೇಕಾಗುತ್ತದೆ.
ಆ ಕ್ರಮಗಳನ್ನು ಕಾರ್ಯರೂಪಕ್ಕೆ ತರಲು ಶಿಸ್ತು ಬೇಕಾಗುತ್ತದೆ. ಕ್ರಮ ಮತ್ತು ಶಿಸ್ತುಗಳ ಉದ್ದೇಶ ವ್ಯಕ್ತಿ, ಕುಟುಂಬ, ಸಂಬಂಧ ಮತ್ತು ಸಮಾಜ; ಇವಿಷ್ಟನ್ನೂ ಆರೋಗ್ಯವಾಗಿಡುವುದಷ್ಟೇ ಆಗಿರುತ್ತದೆ. ಇದನ್ನೇನಾದರೂ ನಾವು ಮೌಲ್ಯ ಎನ್ನಬಹುದೇ? ಅನ್ನಬಹುದು. ಅಂದುಕೊಳ್ಳೋಣ, ಅಡ್ಡಿಯಿಲ್ಲ.
ಆರೋಗ್ಯವಾಗಿರಬೇಕು ಎಂದು ಬಯಸುತ್ತಿರುವುದಾದರೂ ಆನಂದಕ್ಕೆ. ಹಿತವಾದ ಬದುಕು, ಆನಂದವಾದ ವಾತಾವರಣ ಮತ್ತು ಘಾಸಿತವಾಗುವಂತಹ ಸಂಘರ್ಷಗಳಿಲ್ಲದ ಜೀವನವನ್ನು ನಾವು, ನಮ್ಮ ಸಹಜೀವಿಗಳು ಮತ್ತು ಮುಂದಿನ ಪೀಳಿಗೆಯವರು ಹೊಂದಬೇಕೆನ್ನುವುದೇ ನಮ್ಮ ಉದ್ದೇಶವಾಗಿದ್ದ ಪಕ್ಷದಲ್ಲಿ ಯಾವುದ್ಯಾವುದಕ್ಕೋ ಮೌಲ್ಯವೆಂದು ಆರೋಪಿಸುವುದನ್ನು ನಿಲ್ಲಿಸಬೇಕು. ಅನರ್ಥಕಾರಿ ಮತ್ತು ಅನಗತ್ಯವಾಗಿರುವುದನ್ನೆಲ್ಲಾ ಮೌಲ್ಯವೆಂದು ಪರಿಗಣಿಸುವುದನ್ನು ನಿಲ್ಲಿಸಬೇಕು.
ಅವಗ್ಯಾವಾಗಲೋ ಪತಿಯೇ ಪರದೈವ ಎಂಬುದೊಂದು ಮೌಲ್ಯ. ಅವನು ಬೂಟುಗಾಲಿನಲ್ಲಿ ಒದ್ದರೂ ಕೊಟ್ಟ ಹೆಣ್ಣು ಕುಲಕ್ಕೆ ಹೊರಗೆ ಎಂದು ಬಂದು ಕೇಳದೇ ಇರುವಂತಹ ಕೌಟುಂಬಿಕ ಅಥವಾ ದಾಂಪತ್ಯದ ಮೌಲ್ಯವನ್ನು ಅವನು ಪಾಲಿಸುತ್ತಿದ್ದರು.ಮೌಲ್ಯಗಳಿಗೊಂದು ಮೌಲ್ಯಮಾಪನವಿರಬೇಕು. ಇದನ್ನು ಗಂಭೀರವಾಗಿ ಪರಿಗಣಿಸೋಣ. ಯಾವುದನ್ನು ಮೌಲ್ಯವೆಂದು ಭಾವಿಸುತ್ತೇವೆಯೋ ಆ ಗುಣವಾಗಲಿ, ವರ್ತನೆಯಾಗಲಿ, ಆಚಾರ ಅಥವಾ ವಿಚಾರವಾಗಲಿ ತನಗೂ ನೋವನ್ನುಂಟು ಮಾಡಿಕೊಳ್ಳಬಾರದು. ಇತರರಿಗೆ ನೋವನ್ನುಂಟು ಮಾಡಬಾರದು. ನೋವೆಂದರೆ ಮಾನಸಿಕವಾಗಿ, ದೈಹಿಕವಾಗಿ ಮತ್ತು ಭಾವನಾತ್ಮಕವಾಗಿ ಕಿರುಕುಳ ಆಗಬಾರದು. ಯಾವುದೇ ವ್ಯಕ್ತಿಯ ವಯಸ್ಸು, ಹಿನ್ನೆಲೆ, ವರ್ಣ ಮತ್ತು ವರ್ಗಗಳನ್ನು ಲೆಕ್ಕಿಸದೇ ಗೌರವವನ್ನು ಸಲ್ಲಿಸಬೇಕು.
ಅಂದರೆ ಯಾವುದರ ಆಧಾರದಲ್ಲಿಯೂ ಯಾರೊಬ್ಬರ ವ್ಯಕ್ತಿಗೌರವಕ್ಕೆ ಮತ್ತು ಸ್ವಾತಂತ್ರ್ಯಕ್ಕೆ ಧಕ್ಕೆಯಾಗಬಾರದು. ಸೋಲು, ಅವಘಡ, ನೋವು, ಸಾವಿನಂತಹ ಸಂಕಟಗಳ ಸಮಯಗಳಲ್ಲಿ ಯಾರಿಗಾದರೂ ನೆರವಾಗುವಂತಹ ವರ್ತನೆಗಳು ಸಹಜವಾಗಿರಬೇಕು. ಯಾರೊಬ್ಬರ ಆಯ್ಕೆ ಮತ್ತು ಜೀವನ ಕ್ರಮದಲ್ಲಿ ಅನಗತ್ಯವಾಗಿ ಮೂಗು ತೂರಿಸುವಂತಹ ಅತಿಕ್ರಮಣ ಪ್ರವೇಶದ ಧೋರಣೆಗಳು ಇರಬಾರದು.
ಯಾರೊಬ್ಬರ ಆಹಾರ, ಆಶ್ರಯ, ಶಿಕ್ಷಣ ಮತ್ತು ಆರೋಗ್ಯದ ವಿಷಯದಲ್ಲಿ ಯಾರಾದರೂ ತಮ್ಮಿಂದಾಗುವ ಕಾಣ್ಕೆಯನ್ನು ನೀಡುವಂತಹ ಔದಾರ್ಯವನ್ನು ಹೊಂದಿರಬೇಕು. ಈ ರೀತಿಯಲ್ಲಿ ಒಂದಿಷ್ಟನ್ನು ಪಟ್ಟಿ ಮಾಡಿಕೊಂಡು ಪಟ್ಟು ಹಿಡಿದು ಉಳಿದ ವಿಷಯಗಳನ್ನು ಧಾರ್ಮಿಕವೇ ಆಗಿರಲಿ, ಸಾಂಸ್ಕೃತಿಕವೇ ಆಗಿರಲಿ, ಸಾಮಾಜಿಕವಾಗಿ ಪ್ರಚಲಿತದಲ್ಲಿದ್ದು ಬಹಳ ಜನಪ್ರಿಯವಾಗಿರಲಿ ನಿರಾಕರಿಸುವಂತಹ ಸಾಮಾಜಿಕವಾಗಿ ಧೈರ್ಯವೂ ಮಾನಸಿಕವಾಗಿ ಗಟ್ಟಿತನವೂ ಇರಬೇಕು.
ಧೈರ್ಯ ಮತ್ತು ಗಟ್ಟಿತನ
ಸಾಮಾಜಿಕವಾಗಿ ಧೈರ್ಯ ಮತ್ತು ಮಾನಸಿಕವಾಗಿ ಗಟ್ಟಿತನದಿಂದ ಕೂಡಿರುವ ಮೌಲ್ಯವನ್ನು ಪ್ರತಿಪಾದಿಸಿಕೊಂಡು ಬರುವಂತಹ ಮನಸ್ಥಿತಿಯವರಿಗೆ ಅರಿಮೆಗಳಂತಹ ಮಾನಸಿಕ ಸಮಸ್ಯೆಗಳು ವಿರಳವೆಂದೇ ಹೇಳಬಹುದು. ಏಕೆಂದರೆ ಅವರಿಗೆ ಸಮಾಜದ ಒಪ್ಪಿತ ಅಥವಾ ತಿರಸ್ಕೃತ ವಿಚಾರಗಳು ಕಾಲದಿಂದ ಕಾಲಕ್ಕೆ ಬದಲಾಗುತ್ತಾ ಬರುವ ವಿಷಯದ ಬಗ್ಗೆ ಅರಿವಿರುತ್ತದೆ.
ವ್ಯಕ್ತಿಗತವಾಗಿ ಮತ್ತು ವ್ಯಕ್ತಿಗಳಿಂದ ಕೂಡಿರುವ ಸಮಾಜಕ್ಕೆ ಯಾವುದು ಅಗತ್ಯ ಮತ್ತು ಯಾವುದು ಅನಗತ್ಯ ಎಂದು ತಿಳಿದಿರುತ್ತದೆ. ತಾವು ಯಾವ ಕ್ರಮದಲ್ಲಿ ಆಲೋಚನೆಗಳನ್ನು ಹೊಂದಿದ್ದೇವೆ ಮತ್ತು ಯಾವ ರೀತಿಯಲ್ಲಿ ಶಿಸ್ತುಬದ್ಧರಾಗಿದ್ದೇವೆ ಎಂಬುದರ ಬಗ್ಗೆ ಸ್ಪಷ್ಟತೆ ಇರುತ್ತದೆ. ಹಾಗಾಗಿ ಅರಿಮೆಗಳ ಸಮಸ್ಯೆ ಅವರಲ್ಲಿ ವಿರಳ. ದ್ವಂದ್ವಗಳು, ಗೊಂದಲಗಳು ಸಮಸ್ಯೆಗಳಿಗೆ ಸಂಪನ್ಮೂಲಗಳು.
ಸಾಮಾಜಿಕ ಸೋಂಕು
ತಿಳಿಯದೇ ಯಾವುದ್ಯಾವುದೋ ಸೋಂಕುಗಳು ತಗುಲಿ ಶರೀರದಲ್ಲಿ ಸಮಸ್ಯೆಯಾದಂತೆ, ಆಕಸ್ಮಿಕ ಮತ್ತು ಅಪಘಾತಗಳಿಂದ ದೇಹಕ್ಕೆ ಗಾಯಗಳಾದಂತೆ, ಮನಸ್ಸಿಗೂ ಕೆಲವು ಸಮಸ್ಯೆಗಳು ಬರುತ್ತವೆ, ಗಾಯಗಳು ಆಗುತ್ತವೆ. ಇವಕ್ಕೆ ಯಾವುದೋ ಸನ್ನಿವೇಶ, ಸಂಗತಿಗಳು ಮತ್ತು ಸಾಂದರ್ಭಿಕ ಒತ್ತಡಗಳು ಕಾರಣಗಳಾಗುತ್ತವೆ. ದೈಹಿಕ ಸಮಸ್ಯೆಗಳನ್ನು ತಪಾಸಣೆಗಳಿಂದ ತಿಳಿದುಕೊಳ್ಳುವಂತೆ ಮಾನಸಿಕ ಸಮಸ್ಯೆಗಳನ್ನು ಮತ್ತು ಘಾಸಿತ ಮನಸ್ಸಿನ ನೋವಿನ ಕಾರಣಗಳನ್ನೂ ವ್ಯಕ್ತಿಗಳು ಗಮನಿಸಿಕೊಳ್ಳುವಷ್ಟು ಪ್ರಜ್ಞಾವಂತರಾದರೆ ಅಲ್ಲಿಗೆ ಆರೋಗ್ಯಕರ ಮನಸ್ಸಿನ ಭರವಸೆಯನ್ನು ಹೊಂದಬಹುದು.
ಆಕಾಶದಲ್ಲಿ ಮೋಡಗಳು ಚಲಿಸಿದಂತೆ ಯಾವುದ್ಯಾವುದೋ ಮನೋವಿಕಾರಗಳು, ವಿಕೃತ ಭಾವನೆಗಳು, ಅಸಂಬದ್ಧ ಆಲೋಚನೆಗಳು ವರ್ತಿಸಲು ಮತ್ತು ಪ್ರದರ್ಶಿಸಲು ಹಾತೊರೆಯುತ್ತವೆ. ವಿಕಾರ ವಿಕೃತ ಅಕ್ರಮ ಎಂದೆಲ್ಲಾ ಹೇಳುವುದೂ ಕೂಡಾ ಸಾಮಾಜಿಕ ಅಭಿಪ್ರಾಯಗಳ ಪದಗಳೇ. ಆದರೆ ಸಮಸ್ಯೆಗೆ ಸಮಾಧಾನ ಹುಡುಕುವವರಿಗೆ ಅವು ಸಮಸ್ಯೆಗಳು ಮಾತ್ರವೇ. ಮನೋವೈದ್ಯರಿಗೆ ಅವುಗಳು ರೋಗಲಕ್ಷಣಗಳು. ಆ ರೋಗಲಕ್ಷಣಗಳನ್ನು ಅನುಸರಿಸಿ ಸಮಾಲೋಚನೆ ಮಾಡಿ ರೋಗದ ಕಾರಣವನ್ನು ಪತ್ತೆ ಮಾಡಬೇಕು ಮತ್ತು ಚಿಕಿತ್ಸೆಯನ್ನು ನೀಡಿ ರೋಗಿಯನ್ನು ರೋಗಮುಕ್ತನನ್ನಾಗಿ ಮಾಡಬೇಕು. ಇದು ವೈದ್ಯರಾದವರ ಮತ್ತು ಸಮಾಲೋಚಕರ ಉದ್ದೇಶ ಮತ್ತು ಗಮ್ಯ.
ವೈದ್ಯರು ರೋಗಿಯನ್ನು ದ್ವೇಷಿಸಲಾರರು. ಅವರ ಗುರಿ ರೋಗಿಯೆಂಬ ಜೀವಿಯ ಕ್ಷೇಮ ಮತ್ತು ರೋಗವೆಂಬುದರ ನಿರ್ನಾಮ. ಅರಿಮೆಗಳು ಮತ್ತು ಇತರ ಮಾನಸಿಕ ಸಮಸ್ಯೆಗಳು ಇರುವ ನಾವಾಗಲಿ, ನಮ್ಮ ಜೊತೆಯಲ್ಲಿರುವವರು ಯಾರೇ ಆಗಲಿ ನಾವು ಹೊಂದಬೇಕಾದ ಧೋರಣೆಯೇ ಇದು. ದೈಹಿಕ ಮತ್ತು ಮಾನಸಿಕ ಸಮಸ್ಯೆಗಳನ್ನು ಹುಟ್ಟುಹಾಕುವಲ್ಲಿ ಧರ್ಮಗಳು, ಸಂಸ್ಕೃತಿಗಳು, ಸಾಮಾಜಿಕ ಅಭಿಪ್ರಾಯಗಳು, ಜಾತಿ ಗೋತ್ರಗಳ ಶ್ರೇಷ್ಟತೆ ಮತ್ತು ಮಡಿವಂತಿಕೆಯ ಗೀಳುಗಳು, ಸೈದ್ಧಾಂತಿಕ ವ್ಯಸನಗಳೆಲ್ಲವೂ ತಮ್ಮ ಪಾತ್ರಗಳನ್ನು ವಹಿಸುತ್ತವೆ.
ನಮಗೆ ಅಪಘಾತವಾಗಿ ಅಥವಾ ಶಸ್ತ್ರಚಿಕಿತ್ಸೆಯ ಸಂದರ್ಭದಲ್ಲಿ ರಕ್ತಬೇಕಾದಾಗ ಧರ್ಮ ಅಥವಾ ಜಾತಿಯನ್ನು ನೋಡದೇ ಅಗತ್ಯವಾಗಿರುವ ಗ್ರೂಪಿನ ರಕ್ತವನ್ನು ನೋಡುವಂತೆ, ಜಡ್ಡು ಬಿದ್ದ ದೇಹಕ್ಕೆ ಅಗತ್ಯವಿರುವ ಔಷಧಿಯನ್ನು ತೆಗೆದುಕೊಳ್ಳುವಂತೆ, ಧಾರ್ಮಿಕ – ಸಾಂಸ್ಕೃತಿಕ – ಸಾಮಾಜಿಕ ಕಟ್ಟುಪಾಡುಗಳಿಂದ ಉಂಟಾಗುವ ಮಾನಸಿಕ ಒತ್ತಡಗಳು ಮತ್ತು ಸಮಸ್ಯೆಗಳನ್ನು ನಿಭಾಯಿಸುವಲ್ಲಿಯೂ ಕೂಡಾ ವೈಜ್ಞಾನಿಕ ಮತ್ತು ವೈಚಾರಿಕ ಕ್ರಮಗಳನ್ನು ಅನುಸರಿಸಬೇಕು.
ದೈಹಿಕ ಸಮಸ್ಯೆಗಾದರೂ ಅವರಿವರು ಬಾಹ್ಯ ಒತ್ತಡವನ್ನು ವ್ಯಕ್ತಿಗಳ ಮೇಲೆ ಹೇರಿ ಚಿಕಿತ್ಸೆಯು ನಡೆಯುವಂತೆ ನೋಡಿಕೊಳ್ಳಬಹುದು. ಆದರೆ ಮಾನಸಿಕ ಸಮಸ್ಯೆಗೆ ಅವರಿವರು ಬಾಹ್ಯ ಒತ್ತಡವನ್ನು ತರಲು ಆಗದು. ವ್ಯಕ್ತಿಯು ತಾನೇ ಮೊದಲು ಒಪ್ಪಿಕೊಳ್ಳಬೇಕು. ತನಗಿರುವ ಸಮಸ್ಯೆಯಿಂದ ತಾನು ಬಿಡುಗಡೆಯಾಗುವ ಆಶಯವನ್ನು ಹೊಂದಬೇಕು. ಅದಕ್ಕಾಗಿ ಅವನು ಪ್ರಾಮಾಣಿಕವಾಗಿ ಕ್ರಮದಲ್ಲಿ ಒಳಗಾಗಿ, ಶಿಸ್ತನ್ನು ಪಾಲಿಸಲು ಸಿದ್ಧನಾಗಬೇಕು.
ಇದು ವ್ಯಕ್ತಿಯು ತಾನೇ ಮುಂದಾಗಬೇಕಾದ ಕಾರಣದಿಂದ ತಪಾಸಣೆಯೂ ಆಗದು, ಚಿಕಿತ್ಸೆಯೂ ನಡೆಯದು, ಗುಣಮುಖರೂ ಆಗರು. ಹಾಗಾಗಿಯೇ ಮಾನಸಿಕ ಸಮಸ್ಯೆಗಳ ನಿರ್ವಹಣೆಯಲ್ಲಿ ಭಾರತವು ಬಹಳ ಹಿಂದಿದೆ. ವೈಜ್ಞಾನಿಕ ತಪಾಸಣೆಗೆ ಮತ್ತು ಚಿಕಿತ್ಸೆಗೆ ಒಡ್ಡಿಕೊಳ್ಳುವವರ ಸಂಖ್ಯೆ ಬಹಳ ಕಡಿಮೆಯಿದೆ. ರೋಗಿಗಳ ಸಂಖ್ಯೆಯು ಬಹುದೊಡ್ಡ ಪ್ರಮಾಣದಲ್ಲಿದೆ. ಮಾನಸಿಕ ರೋಗಿಯೆಂದರೆ ಕಡೆಗಣಿಸಿ ಕಾಣುವಂತಹ ಮನಸ್ಥಿತಿ ಸಮಾಜದಲ್ಲಿದೆ.
ಅವರನ್ನು ಕೇವಲವಾಗಿ ಕಾಣುವ, ನಿಮ್ಹಾನ್ಸ್ ನಂತಹ ಪ್ರತಿಷ್ಟಿತ ಮತ್ತು ಬದ್ಧತೆಯಿಂದ ಕೆಲಸ ಮಾಡುತ್ತಿರುವಂತಹ ಚಿಕಿತ್ಸಾ ಕೆಂದ್ರವನ್ನು “ಹುಚ್ಚರ ಆಸ್ಪತ್ರೆ” ಎಂದು ಅವಹೇಳನಕಾರಿಯಾಗಿ ಹಾಸ್ಯ ಮತ್ತು ಅಪಹಾಸ್ಯಗಳನ್ನು ಮಾಡುವ ಜನರಿದ್ದಾರೆ. ಇಂತಹ ಸೋಶಿಯಲ್ ಸ್ಟಿಗ್ಮಾ ಅಥವಾ ಸಾಮಾಜಿಕ ಅಪಕೀರ್ತಿಯೂ ಕೂಡಾ ಮಾನಸಿಕ ಸಮಸ್ಯೆಗಳಿಗೆ ವೈಜ್ಞಾನಿಕವಾಗಿ ಪರಿಹಾರ ಕಂಡುಕೊಳ್ಳದಿರಲು ಕಾರಣ. ಆದರೆ ಸಾಮಾಜಿಕ ಅಪಕೀರ್ತಿಯನ್ನು ಅಥವಾ ಕಳಂಕವನ್ನು ಸೃಷ್ಟಿಸಿರುವವರಾದರೂ ಯಾರು? ಮತ್ತಿದೇ ವ್ಯಕ್ತಿಗಳು.
ತಾವೇ ಸಮಸ್ಯೆಯಲ್ಲಿರುವರು, ತಮ್ಮ ಸಮಸ್ಯೆಯನ್ನು ನಿವಾರಿಸಿಕೊಳ್ಳಲಾಗದಂತೆ ತಾವೇ ಸಾಮಾಜಿಕ ಮನಸ್ಥಿತಿಯನ್ನು ನಿರ್ಮಿಸುವರು. ಇದು ಇಂದಿನ ಬಹುದೊಡ್ಡ ಸಮಸ್ಯೆ. ಇದರ ಬಗ್ಗೆ ನಾವು ಮೊದಲು ಜಾಗೃತರಾಗುವುದು ಮತ್ತು ಇತರರಲ್ಲಿ ಜಾಗೃತಿ ಮೂಡಿಸುವುದು ನಮ್ಮ ಸಧ್ಯದ ಕರ್ತವ್ಯ. ಇದಾದರೆ ಆರೋಗ್ಯಕರವಾದ ಮನಸ್ಸು ಮತ್ತು ಸಮಾಜವನ್ನು ಹಂತಹಂತವಾಗಿಯಾದರೂ ಮುಂದಿನ ಪೀಳಿಗೆಗಳಿಗೆ ನಿರ್ಮಿಸಲು ಸಾಧ್ಯವೇನೋ ನೋಡಬಹುದು.
(ಮುಂದುವರಿಯುತ್ತದೆ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು
~ ಯೋಗೇಶ್ ಮಾಸ್ಟರ್
ಮೆಟ್ಟಿಲುಗಳ ಮೇಲೆ ನಿಂತು ದಿಟ್ಟಿಸುತ್ತಿರುವವನ ನೋಡುಗರು ಏನೆಂದು ತಿಳಿದಾರು? ಹತ್ತುತ್ತಿರುವನೆಂದೋ, ಇಳಿಯುತ್ತಿರುವನೆಂದೋ? ಯಾರೇನಾದರೂ ಅಂದುಕೊಳ್ಳಲಿ ಹೊರಗೆ ಹತ್ತುತ್ತಿರುವವನು ಇಳಿಯುತ್ತಿರಬಹುದು. ಇಳಿಯುತ್ತಿರುವವನು ಹತ್ತುತ್ತಿರಬಹುದು.
ಈಗ ಯಾರೂ ನೋಡುತ್ತಿಲ್ಲ. ನಾನು ಹತ್ತುತ್ತಿರುವೆನೋ ಇಳಿಯುತ್ತಿರುವೆನೋ ಯಾರೂ ನೋಡುತ್ತಿಲ್ಲ. ಯಾರೊಬ್ಬರೂ ಇಲ್ಲದಿರುವಾಗಲೂ ನಾನು ನನಗೆ ಪ್ರಾಮಾಣಿಕವಾಗಿ ಇರದಿದ್ದರೆ? ‘ಆತ್ಮಾರಾಮ್, ಈಗೇನು ನೀನು ಏರುತ್ತೀಯೋ, ಇಳಿಯುತ್ತೀಯೋ?’ ಬೇರೊಬ್ಬರು ಕೇಳುವ ಪ್ರಶ್ನೆಗಳಿಗೆ ಉತ್ತರಿಸಿಬಿಡಬಹುದು. ನಾನೇ ಹಾಕಿಕೊಳ್ಳುವ ಪ್ರಶ್ನೆಗೆ ನಾನೇ ಉತ್ತರಿಸುವ ಧೈರ್ಯ ಅಷ್ಟು ಸುಲಭದಲ್ಲಿ ಬರುವುದಿಲ್ಲ.
ನೂರಾರು ಆಪ್ತ ಸಮಾಲೋಚನೆಗಳಲ್ಲಿ ಸಾವಿರಾರು ಪ್ರೊಜೆಕ್ಟಿವ್ ಪ್ರಶ್ನೆಗಳನ್ನು ಕೇಳಿದ್ದೇನೆ. ನನಗೆ ನಾನೇ ಪ್ರೊಜೆಕ್ಟ್ ಮಾಡುವ ಪ್ರಶ್ನೆಯನ್ನು ನಾನು ಹಾಕಿಕೊಳ್ಳಲು ಇದುವರೆಗೂ ಆಗಿಲ್ಲ.
ಇವತ್ತು ಹಾಕಿಕೊಂಡೆ. ಅದ್ಯಾಕೋ ಮೆಟ್ಟಿಲುಗಳು ನನ್ನ ಪ್ರಶ್ನಿಸಿದವು. ಹೇ ಆತ್ಮಾರಾಮ್, ಈಗೇನು? ನೀನು ಏರುತ್ತೀಯೋ? ಇಳಿಯುತ್ತೀಯೋ?’ ಏರಿದ್ದೇನೆಂದುಕೊAಡು ಇಳಿದಿರುವ ನಾನು ಹೇಗೆ ಉತ್ತರಿಸಲಿ? ಮೆಲ್ಲನೆ ಕುಳಿತುಬಿಟ್ಟೆ.
ಹೌದು, ಈ ಮೆಟ್ಟಿಲುಗಳು ಬರೀ ಏರಲಲ್ಲ, ಇಳಿಯಲೂ ಅಲ್ಲ. ಕುಳಿತುಕೊಳ್ಳಲೂ ಹೌದು.
ಒಳಗಿರುವ ಮಾತುಗಳು ಹೊರಗೆಡವಲೂ ಅಲ್ಲ, ಒಳಗೆ ನುಂಗಿಕೊಳ್ಳಲೂ ಅಲ್ಲ. ಆದರೆ ಅವು ಬಹುಕಾಲದಿಂದ ಕಾಯುತ್ತಲೇ ಇವೆ. ಕಾದು ಕಾದು ಬಿಸಿಯೇರಿದೆ. ಈಗ ಹೊರಗೆಡಬೇಕು ಅಥವಾ ನುಂಗಬೇಕು. ಹಾಗೆಯೇ ತಣ್ಣಗಾಗುವ ಬಗೆಯೇನಾದರೂ ಇದೆಯಾ?
ನೋಡುಗರ ಕಣ್ಣಲ್ಲಿ ನಾನೊಂದು ಪರಮ ಶಾಂತಿ. ಆದರೆ ಅದು ನನ್ನೊಳಗೆ ಬರೀ ಭ್ರಾಂತಿ. ಒಳಗೆ ಪದೇ ಪದೇ ಪ್ರತಿಧ್ವನಿಸುತ್ತಿರುವ ಸದ್ದುಗಳ ಸೊಲ್ಲಡಗಿಸಿ ಸುಮ್ಮನಿರಿಸಲು ಹೇಗಾದೀತು? ಆಪ್ತ ಸಮಾಲೋಚನೆಗೆ ಬಂದವರು ಇದನ್ನು ಹೇಳಿದರೆ, “ಪದೇ ಪದೇ ಆಲೋಚನೆಗಳು ಬರುತ್ತಿದ್ದರೆ ಅದನ್ನು ಚಿಂತಾಚಕ್ರ ಅಥವಾ ಡಿumiಟಿಚಿಣioಟಿ ಎನ್ನುತ್ತೇವೆ. ಅದರಿಂದ ನೀವು ಹೊರಗೆ ಬರಬೇಕು” ಎಂದು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟು ಕಳುಹಿಸುತ್ತಿದ್ದೆ. ಆದರೆ ನನಗೆ ನಾನು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟುಕೊಳ್ಳಲು ಆಗದು.
ಸದ್ದಿಲ್ಲದ ಹಗಲಲ್ಲಿ, ಸದ್ದಡಗಿದಾಗ ರಾತ್ರಿಯಲ್ಲಿ ಹಳೆಯ ಮಾತುಕತೆಗಳು, ತಪುö್ಪಗಳು, ಬೇಸರಗಳು, ಪಶ್ಚಾತ್ತಾಪಗಳು ಮತ್ತು ವೈಫಲ್ಯಗಳು ಹಿಂದೆ ಹಿಂದೆಯೇ ಕಡಲ ತಡಿಗೆ ಬಂದಪ್ಪಳಿಸುವ ತಡೆಯಲಾಗದ ಅಲೆಗಳಾಗಿರುತ್ತವೆ. ಬೆಳಗಾದಾಗ ಗತ್ಯಂತರವಿಲ್ಲದೇ ಮಾಡುವ ಗದ್ದಲದಲ್ಲಿ ರಾತ್ರಿಗಾಗಿ ಕಾಯುತ್ತಾ ಒಳಗವಿತಿರುವ ಹೆಗ್ಗಣಗಳಂತೆ, ಜಿರಳೆಗಳಂತೆ ಅದೆಲ್ಲೋ ಬಿದ್ದಿರುತ್ತವೆ. ರಾತ್ರಿಯಾದರೆ ಸಾಕು ಮೆದುಳೆಂಬ ಒಡಕಲು ಪ್ರೊಜೆಕ್ಟರ್ ತನ್ನ ಮಾಸಲು ಸಿನಿಮಾವನ್ನು ತಂತಾನೆ ತೋರಿಸಲಾರಂಭಿಸುತ್ತವೆ.
ಅವರಿಗೆ ಇವರಿಗೆ ನಾನು ಹೇಳುವುದು ಅದೆಷ್ಟು ಕಪಟತನದ್ದು!
‘ಇದು trap of overthinking. ನೀವು ಹೊರಗೆ ಬರಬೇಕು.’
ನನಗೇ ಅವನ್ನು ನೋಡಿಕೊಳ್ಳಲು ಆಗಿಲ್ಲ. ನೋಡಿಕೊಳ್ಳಲು ಆಗಿಲ್ಲ ಎನ್ನುವುದಕ್ಕಿಂತ ನೋಡಿಕೊಳ್ಳಲು ಭಯ. ನನಗೆ ನನ್ನ ಮೇಲೆಯೇ ಜಿಗುಪ್ಸೆ ಬಂದುಬಿಟ್ಟೀತೆAಬ ಭಯ. ಆದರೆ ನೋಡಿಕೊಂಡರೆ ಬಾಧೆ ನಿವಾರಣೆಯಾಗಬಹುದು. ಚಿಂತಾಚಕ್ರ ತಿರುಗುತ್ತಿದ್ದಂತೆ, ಬಹುಕಾಲ ತಿರುಗುತ್ತಲೇ ಇದ್ದಂತೆ ಸವೆಯುವುದು. ಆ ಸವಕಳಿ ಚಿಂತಾಚಕ್ರವನ್ನು ಇಲ್ಲವಾಗಿಸದು. ಆದರೆ ಅದು ಸುತ್ತಲು ಮಧ್ಯದ ಕೀಲಾಗಿರುವ ನನ್ನ ಬಳಲಿಸುವುದು.
ಆ ಬಳಲಿಕೆಯೇ ನನ್ನ ವಯಸ್ಸಿಗಿಂತ ಹೆಚ್ಚು ಆಯಸ್ಸಾದಂತೆ ಕಾಣಿಸುವುದು. ಇರುವುದಕ್ಕಿಂತ ದೇಹ ಭಾರವಾಗಿರುವುದು.
ಹೌದಲ್ಲಾ, ಏರುತ್ತಲೋ, ಇಳಿಯುತ್ತಲೋ ಹೆಣಗಾಡುವ ಬದಲು ಕುಳಿತಾದ ಅಂದೆತದ್ದೋ ಪ್ರಶಾಂತತೆ ಒದಗಿದೆ ಇಂದು! ನನಗೆ ನಾನೇ ಹಳೆಯ ಸ್ನೇಹಿತನಾಗಿ ಕುಳಿತುಕೊಂಡು ನನ್ನದೇ ಮಾತುಗಳಿಗೆ ನಾನೇ ಕಿವಿಯಾಗುವ ಸರತಿ ಇಂದು ಒದಗಿತೇ?
ನನಗೆ ನಾನೇ ಹೇಳಿಕೊಳ್ಳುವುದು ಪರಕೀಯವೆನ್ನಿಸಿದರೂ ಒಂದಿಷ್ಟು ಉಸಿರಾಡಲು ಸರಾಗವೆನಿಸಿದೆ. ಕೈ ಮುಷ್ಟಿಗಟ್ಟಿದರೂ ಒಳಗೇ ಸಡಿಲವಾಯಿತು. ಮಡಿಸಿದ ಮೊಣಕೈ ತೊಡೆಯ ಮೇಲೆ ಒತ್ತುವುದನ್ನು ನಿಲ್ಲಿಸಿ ಹಗುರವಾಗಿ ಹತ್ತಿಯಂತೆ ಊರಿತು. ಮಧ್ಯಾಹ್ನದಲ್ಲೂ ತಂಗಾಳಿಯು ಮುಖಕ್ಕೆ ಮುತ್ತಿಡತೊಡಗಿತು.
ನಾಳೆ ಈ ಚಿಂತಾಚಕ್ರ ಮತ್ತೆ ತಿರುಗಣಿಯಾಗಬಹುದೇನೋ. ಆದರೆ ಚಿಂತೆಗಳ ನಡುನಡುವೆ ಒಂದಿಷ್ಟು ಉಸಿರುತೆಗೆದುಕೊಳ್ಳಲು ಸಾಧ್ಯವಾಗಿದ್ದು, ಏರುವುದನ್ನು, ಇಳಿಯುವುದನ್ನು ಬಿಟ್ಟು ಈ ಮೆಟ್ಟಿಲುಗಳ ಮೇಲೆ ಕೂತಿದ್ದಕ್ಕೆ.
‘ಹೌದು ಕಣೋ ಆತ್ಮಾ, ಹೌದು!’

ಅಂತರಂಗ
ಡಾ. ಆತ್ಮಾರಾಮನ ಆತ್ಮನಿವೇದನೆ ; ಒಳಗನ್ನಡಿಯಲ್ಲಿ ಮೌನದ ಮುಖ
~ಯೋಗೇಶ್ ಮಾಸ್ಟರ್, ಚಿಂತಕರು
ಆಪ್ತ ಸಮಾಲೋಚಕ ಮತ್ತು ಮನೋವೈದ್ಯ
ಹಾಗಂತಿರುವ ನನ್ನ ಮನೆಯ ಮುಂದಿನ ನನ್ನ ಪರಿಚಯ. ಅದನ್ನೇ ನಾನೆಂದು ತಿಳಿದಿರುವ ಹೊರಗಿನವರಿಗೆಲ್ಲಾ ನನ್ನೊಳಗಿರುವ ಅಪರಿಚಿತನ ಹೇಗೂ ಕಾಣಲಾಗದು.
ಲೋಕ ಕಾಣುವ ಅಥವಾ ನಾನು ತೋರುವ ಮುಖದ ಮುಸುಕನ್ನು ಸರಿಸಿ ಇಣುಕುವಷ್ಟು ಯಾರಿಗಾದರೂ ಅದೆಷ್ಟು ಬಿಡುವಿರುವುದು! ಪರದೆಯ ಮೇಲಿನ ಡಾ. ಆತ್ಮಾರಾಮನ ನೆರಳಿನಾಟವನ್ನು ಮೆಚ್ಚುವರು, ಹೊಗಳುವರು, ತೆಗಳುವರು, ತಿರಸ್ಕರಿಸುವರು; ಅವರವರ ಕಣ್ಣುಗಳ ಅಭಿರುಚಿಗೆ ತಕ್ಕಂತೆ.
ಪರರ ರುಚಿಗೆ ಎಟಕುವುದು ಚಹರೆಗಳೇ ತಾನೇ! ಅವರ ಕಣ್ಣುಗಳಿಂದಲೇ ನನ್ನ ನಾನು ಕಂಡುಕೊಳ್ಳಲು ಅಥವಾ ಕಾಣಿಸಿಕೊಳ್ಳಲು ಸಾಕಾಗಿ ನನ್ನ ಕಣ್ಣುಗಳು ಮುಚ್ಚಿಕೊಂಡವು. ಅದೆಷ್ಟೋ ಹೊತ್ತು ಹಾಗಿದ್ದೆನೋ!
ಚಹರೆಗಳ ನೆರಳುಗಳನ್ನು ನುಂಗಿಕೊAಡ ಕಣ್ಣೊಳಗಿನ ಕತ್ತಲೆಯಲ್ಲಿ ಬೆತ್ತಲೆಯಾಗಿರುವುದು ಸುಖ. ಅದು ನಿರಾಳತೆಯ ಸುಖ. ತರಾವರಿ ತೊಡುಗೆಗಳ ತೂಕವನಿಳಿಸಿಕೊಂಡ ನಿರಾತಂಕದ ನೆಮ್ಮದಿ. ಕತ್ತಲು; ಅದೆಷ್ಟು ಆಳ! ಗೂಢತೆಗಳ ಮೇಳವದೆಷ್ಟಿದ್ದರೂ ತೋರ್ಪಡಿಸಿಕೊಳ್ಳುವ ಕಾತುರವಿಲ್ಲದ ನಿರಹಂಕಾರದ ನಿರಾಳತೆ!
ಬೆಳಕಿನದೇ ಸಮಸ್ಯೆ. ಅದರಲ್ಲದೆಷ್ಟು ಬಣ್ಣಗಳು, ಬಣ್ಣನೆಗಳು. ವ್ಯತ್ಯಾಸಗಳು, ವ್ಯತ್ಯಯಗಳು. ಸಮೀಕರಣಗಳು, ಅಸಮಾನತೆಗಳು. ಉಪಮೆಗಳು, ಉದಾಹರಣೆಗಳು. ಸಾಧಾರಣಗಳು, ಅಸಾಧರಣಗಳು. ಅಸೂಯೆಗಳು, ಆಯಾಸಗಳು. ಕತ್ತಲು ನೆಮ್ಮದಿ. ಮುಚ್ಚಿರುವ ಕಣ್ಣೊಳಗಿನ ಕತ್ತಲಿನಲ್ಲಿ ಕಾಣತೊಡಗಿದ ನನ್ನ ಬಿಂಬವನ್ನು ನೋಡುತ್ತಲೇ ಕುಳಿತುಬಿಟ್ಟೆ. ಹೌದಲ್ಲಾ, ಇಷ್ಟು ಕಾಲ ಮುಚ್ಚಿಟ್ಟಿದವರೇ ಈಗ ಬಿಚ್ಚಿಡುತ್ತಿದ್ದಾರೆ.
ಹೌದು, ಮನಸ್ಸೆಂಬುದೇ ಹಾಗೆ. ಅದು ತನಗೆ ತಾನೇ ತೊಂದರೆಯನ್ನು ಉಂಟುಮಾಡಿಕೊಳ್ಳುತ್ತದೆ. ತಾನೇ ಗೋಗರೆಯುತ್ತದೆ. ತಾನೇ ಸಹಾಯವನ್ನು ನಿರಾಕರಿಸುತ್ತದೆ. ತಾನೇ ಗೋಳಿಡುತ್ತದೆ. ತಾನೇ ಸಂತೈಸುತ್ತದೆ.
ತಿಕ್ಕಲು, ತಾನೇ ಹಾಳು ಮಾಡುವುದು, ತಾನೇ ಗೋಳಿಡುವುದು, ತಾನೇ ಸರಿ ಮಾಡುವುದು. ಈಗ ಸರಿಮಾಡಿಕೊಳ್ಳುವ ಮಗ್ಗುಲಿಗೆ ತಿರುಗಿಕೊಂಡಿದೆ. ಸರಿ ಹೋಗಿಬಿಡಲಿ.
ಸರಿ ಹೋಗುವುದೋ ಬಿಡುವುದೋ, ಸರಿಯಿಲ್ಲ, ಸರಿ ಮಾಡಬೇಕಾಗಿದೆ ಅಂತ ಗೊತ್ತಾಯಿತಲ್ಲಾ ಅಷ್ಟೇ ಸಾಕು.
ರೋಗವಿದೆ ಎಂಬ ಅರಿವು ಬಹುದೊಡ್ಡ ಉಪಶಮನ. ರೋಗವನ್ನೇ ಆರೋಗ್ಯವೆಂದು ಭಾವಿಸಿದ್ದು, ಈಗ ರೋಗ ಎಂದು ತಿಳಿಯಿತಲ್ಲಾ, ಅದೇ ಗುಣಮುಖವಾಗುವ ಮುನ್ಸೂಚನೆ.
ಇಷ್ಟೂ ದಿನಗಳ ಕಾಲ ಕನ್ನಡಿಯೊಳಗೆ ಮುಖ ನೋಡಿಕೊಳ್ಳುತ್ತಿದ್ದದ್ದು, ಇತರರಿಗೆ ಹೇಗೆ ಕಾಣಿಸುತ್ತೇನೆ, ಹೇಗೆ ಕಾಣಿಸಬೇಕು ಎಂದು. ಆದರೆ ಇಂದು ಕತ್ತಲಿನ ಕನ್ನಡಿಯಲ್ಲಿ ಕಾಣುತ್ತಿರುವ ಮುಖದ ಒಳಗಿನ ಮೌನ ತನ್ನ ಗುರುತಿನ ಪರದೆಯನ್ನು ಹರಿಯುತ್ತಿದೆ. ಯಾವ ಅಡಿಗಿದ್ದ ಮೌನ ನನ್ನಾತ್ಮದ ಕವಚವಾಗಿತ್ತೋ ಅದು ಕಾರಾಗೃಹವೆನಿಸಿ ಉಸಿರುಕಟ್ಟಿಸಿದ್ದು ಒಳ್ಳೆಯದೇ ಆಯಿತು.
ಮೌನ ದನಿಯಾಗುತ್ತಿದೆ. ದನಿ ಬನಿಯಾಗುತ್ತಿದೆ.
ಹಾಗಾಗಿಯೇ ಬೆಳಕಿನಲ್ಲಿ ವಿವಿಧ ಬಣ್ಣಗಳನ್ನು ಹಚ್ಚಿ ಬಣ್ಣಿಸಿದ್ದ ಎಲ್ಲಾ ಸಂಬAಧಗಳು, ಸಂಗತಿಗಳು, ಸಂವಹನಗಳು, ಸಂಘರ್ಷಗಳು ಈಗ ನೆನಪಿನ ನೆರಳುಗಳಾಗಿ ಆಳವಾದ ಕತ್ತಲಲ್ಲಿ ಬಣ್ಣ, ಬಣ್ಣನೆಗಳನ್ನು ಕಳೆದುಕೊಂಡಿವೆ.
ಅವರಿವರ ಮನಸ್ಸುಗಳ ಮಸುಕು ಮಾಡುವ ಮುಸುಕುಗಳ ತೆಗೆಯಲು ಸಹಕರಿಸುತ್ತಿದ್ದವನಿಗೆ ಸ್ವಸಹಾಯ ಮಾಡಿಕೊಳ್ಳಲು ಅದೇ ಮನಸ್ಸು ಮನಸ್ಸು ಮಾಡಿದೆ. ಆಗಲಿ, ಅದೂ ಆಗಿ ಹೋಗಲಿ.
ಮನೋವೈದ್ಯ ತನ್ನೊಳಗಿನ ರೋಗವನ್ನು ಪತ್ತೆ ಮಾಡಿಕೊಳ್ಳಲಿ. ಆಪ್ತ ಸಮಾಲೋಚಕ ತನ್ನಿರುವಿಗೆ, ತನ್ನಾಳಕೆ ಒಂದಿಷ್ಟು ಕಾಲ ಆಪ್ತನಾಗಿರುವ ಅವಕಾಶವನ್ನು ದಕ್ಕಿಸಿಕೊಳ್ಳಲಿ. ಮೌನವನ್ನು ಓದುವ ಓರಗೆಯವರಿದ್ದಾರೆ. ಓದಲಿ.
ವೈದ್ಯನೊಬ್ಬ ತಾನು ರೋಗಿಯಾಗಿರಲಿಲ್ಲ, ಅಥವಾ ತನಗೆ ರೋಗ ಬರುವುದಿಲ್ಲ ಎನ್ನುವುದು ಆತ್ಮವಂಚನೆ. ತನಗೆ ತಾನು ವಂಚಿಸಿಕೊಳ್ಳುವವನು ಜಗತ್ತಿನ ಯಾರೊಂದಿಗೆ ವಿಶ್ವಾಸವನ್ನು ಸಂಚಯ ಮಾಡಿಯಾನು!
ಮತ್ತೆ ಸಿಕ್ಕಿದನವನು ಮೌನದಲಿ
ಕಳೆದಿದ್ದವನು ಗದ್ದಲದಲಿ
ಗಾಯಗಳು ಮರೆತಿವೆ
ನೋವಿಲ್ಲದ ಕಲೆಗಳ ಹಿಂದೆ
ಪ್ರತಿ ಉಸಿರು ಆಸೆಗಳ ಬಸಿರು
ಹೆರಲಾಗದೆ ಘನವಾದ ಕಣ್ಣೀರು
ಕರಗುವುದೊಮ್ಮೆ ಹೆಪುö್ಪಗಟ್ಟಿದ ಕಾರ್ಮೋಡ
ಸುರಿವುದಲ್ಲಿ ಒಳಗಣ್ಣಿಂದ ಮಳೆಯು ನೋಡ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ದಿಮಾಗಿ ನಕ್ಸಲ್-ನಗರ ನಕ್ಸಲ್
~ರಹಮತ್ ತರೀಕೆರೆ, ಚಿಂತಕರು
ಕಾರ್ನಾಡರಲ್ಲಿ ನನಗೆ ಮೊದಲಿಂದಲೂ ವೈಯಕ್ತಿಕ ಸಂಪರ್ಕ ಇರಲಿಲ್ಲ. ಅನಂತಮೂರ್ತಿ ಅವರಂತೆ ಅವರು ಕಿರಿಯ ಲೇಖಕರ ಜತೆ ನಂಟಿರಿಸಿಕೊಂಡವರಲ್ಲ. ಯಾರಿಗಾದರೂ ಮುನ್ನುಡಿ ಬರೆದಿದ್ದೂ ನನಗೆ ತಿಳಿದಿಲ್ಲ. ತಾವಾಯಿತು ತಮ್ಮ ಬರೆಹ, ಸಿನಿಮಾ ಆಯಿತು ಎಂದಿದ್ದವರು. ಮಹಾರಾಷ್ಟ್ರದಲ್ಲಿ ಹುಟ್ಟಿ, ಜೀವಿತದ ಬಹುಕಾಲ ಕರ್ನಾಟಕದ ಹೊರಗಿದ್ದ ಅವರು, ಕರ್ನಾಟಕದ ಸಾರ್ವಜನಿಕ ಕಾರ್ಯಕ್ರಮಗಳಲ್ಲೂ ಹೆಚ್ಚು ಕಾಣಿಸಿದವರಲ್ಲ. ಸಮಕಾಲೀನರಾದ ತೇಜಸ್ವಿ ಲಂಕೇಶ್ ಅನಂತಮೂರ್ತಿ ಅವರಂತೆ ಪಬ್ಲಿಕ್ ಇಂಟಲೆಕ್ಚುವಲ್ ಕೆಲಸವನ್ನು ಮೈಮೇಲೆ ಹಾಕಿಕೊಂಡು, ಕರ್ನಾಟಕದ ಕಷ್ಟದ ದಿನಗಳಲ್ಲಿ ತಮ್ಮ ಮಾತು ಭಾಷಣ ಬರೆಹಗಳಿಂದ ಜನಾಭಿಪ್ರಾಯ ರೂಪಿಸಿದವರಲ್ಲ.
ಹೀಗಿದ್ದ ಕಾರ್ನಾಡರು ಬಾಳಿನ ಕೊನೆಯ ವರ್ಷಗಳಲ್ಲಿ ಆಶ್ಚರ್ಯಕರವಾಗಿ ಬದಲಾದರು; ಸಾರ್ವಜನಿಕ ಮಹತ್ವದ ಪ್ರಸಂಗಗಳಲ್ಲಿ ಮಾತಾಡಿದರು. ಹಠಬಿದ್ದಂತೆ ಬೀದಿಗಿಳಿದರು. ಈ ರೂಪಾಂತರಕ್ಕೆ ಕಾರಣ, ಪ್ರಭುತ್ವಗಳು ರಾಜಕೀಯ ಸೈದ್ದಾಂತಿಕ ಭಿನ್ನಮತಗಳನ್ನು ದಮನಿಸುವ ನಡೆಗಳಿರಬಹುದು; ಅನಂತಮೂರ್ತಿ ತೇಜಸ್ವಿ ಲಂಕೇಶ್ ತೀರಿಕೊಂಡ ಬಳಿಕ, ಉಂಟಾದ ರಿಕ್ತತೆ ಅವರನ್ನು ಈ ಹೊಸ ಪಾತ್ರ ನಿರ್ವಹಿಸುವಂತೆ ಆಹ್ವಾನಿಸಿರಬಹುದು. ಅವರು ತಮ್ಮ ಮಾತು, ಕೃತಿ, ಕ್ರಿಯೆಗಳಲ್ಲಿ ಭಾರತವನ್ನು ಆವರಿಸುತ್ತಿರುವ ಮತೀಯತೆ ಕುರಿತು ವ್ಯಗ್ರರಾಗಿದ್ದರು.
ಅವರು ಮಾಡಿದ ಸಾರ್ವಜನಿಕ ಪ್ರತಿರೋಧದ ಪ್ರಕರಣಗಳನ್ನು ಗಮನಿಸಬೇಕು. ಬಾಬರಿ ಮಸೀದಿಯ ಧ್ವಂಸವನ್ನು ವಿರೋಧಿಸಿದ್ದು; ನೈಪಾಲರ ಬಲಪಂಥೀಯವಾದ ಬೆಂಬಲಿಸುವ ನಿಲುವನ್ನು ಖಂಡಿಸಿದ್ದು; ಬಾಬಾಬುಡನಗಿರಿ ಚಳುವಳಿಯಲ್ಲಿ ಭಾಗವಹಿಸಿದ್ದು; ಟಿಪ್ಪು ನೆನಪಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು; ಟಿಪ್ಪು ಕುರಿತು ನಾಟಕ ಬರೆದಿದ್ದು; ಎಂ. ಎಫ್. ಹುಸೇನರ ಸೃಜನಶೀಲತೆ ಪರವಾಗಿ ನಿಂತಿದ್ದು; ಗೋರಕ್ಷಣೆ ಹೆಸರಲ್ಲಿ ನಡೆಯುತ್ತಿರುವ ಉಪಟಳ ವಿರೋಧಿಸಿ `ನಮ್ಮ ಆಹಾರ ನಮ್ಮ ಹಕ್ಕು’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು. ಇಲ್ಲಿನ ಕೊನೆಯ ಕಾರ್ಯಕ್ರಮದಲ್ಲಿ ಅವರೊಟ್ಟಿಗೆ ಅನಂತಮೂರ್ತಿಯವರೂ ಇದ್ದರು. ಭಾರತದಲ್ಲಿ ಇಬ್ಬರು ಜ್ಞಾನಪೀಠ ಲೇಖಕರು ಇಂತಹದೊಂದು ಸಾರ್ವಜನಿಕ ಪ್ರತಿರೋಧದ ಕಾರ್ಯಕ್ರಮದಲ್ಲಿ ಒಟ್ಟಿಗೆ ಭಾಗವಹಿಸಿದ್ದು ಅಪೂರ್ವ ಸಂಗತಿ.
ನನಗೆ ಅವರ ಜತೆ ಮೊದಲ ಮುಖಾಬಿಲೆ ಆಗಿದ್ದು ಬಾಬಾಬುಡನಗಿರಿಗೆ ಮಾಡಿದ ಪಯಣದಲ್ಲಿ. ಸೂಫಿಗಳ ಮೇಲೆ ತುಸು ಅಧ್ಯಯನ ಮಾಡಿದವನೆಂದು ನನ್ನನ್ನು ಅವರೊಟ್ಟಿಗೆ ಕೂರಿಸಲಾಗಿತ್ತು. ಅವರ ಗಂಭೀರ ಸ್ವಭಾವದ ಬಗ್ಗೆ ತಿಳಿದಿದ್ದ ನಾನು, ಅವರಾಗಿ ಏನಾದರೂ ಕೇಳಿದರೆ ಮಾತ್ರ ಹೇಳಬೇಕೆಂದು, ಸಹಪಯಣದ ಖುಶಿಯನ್ನು ಅನುಭವಿಸುತ್ತ ಜತೆಗೆ ಕೂತಿದ್ದೆ. ಗಿರಿಯನ್ನು ವಾಹನ ಹತ್ತುವಾಗ, ನೆತ್ತಿಮೇಲಣ ಶಿಖರಗಳನ್ನೂ ಕೆಳಗಿನ ಕಣಿವೆಗಳನ್ನೂ ನೋಡುತ್ತ ಕಾರ್ನಾಡರು `ಓಹ್ ಎಷ್ಟೊಂದು ಸುಂದರವಾಗಿದೆಯಲ್ಲ’’ ಎಂದು ಉದ್ಗರಿಸುತ್ತ ಮಗುವಿನಂತೆ ಪುಟಿಯುತ್ತಿದ್ದರು.
ಅವರೊಬ್ಬ ಸೆಲೆಬ್ರಿಟಿಯಾದರೂ ಸರಳವ್ಯಕ್ತಿ. ಅಭಿನಯ ಅವರ ವೃತ್ತಿಯಾದರೂ ವ್ಯಕ್ತಿಯಾಗಿ ತೋರಿಕೆಯೇ ಇಲ್ಲದ ನೇರಗುಣದವರು. ಗೋಕರ್ಣದಲ್ಲಿ ನಡೆದ ಗೌರೀಶ ಕಾಯ್ಕಿಣಿಯವರ ಶತಮಾನೋತ್ಸವ ಕಾರ್ಯಕ್ರಮದಲ್ಲಿ ನಮ್ಮನ್ನು ತೋಟದ ಮನೆಯೊಂದರಲ್ಲಿ ಉಳಿಸಲಾಗಿತ್ತು. ಕಾರ್ನಾಡರು ನನಗಿಂತಲೂ ವೈದ್ಯೆಯಾದ ನನ್ನ ಮಗಳ ಜತೆ ಹೆಚ್ಚು ಮಾತನಾಡಿದರು. ಆದಿನ ನಾನು ಅವರ `ಆಡಾಡ್ತಾ ಆಯುಷ್ಯ’ ಒಳಗೊಂಡಂತೆ (ಬೆರಗು ಹುಟ್ಟಿಸುವ ಭಾಷೆಯುಳ್ಳ ವಿಶಿಷ್ಟ ಗದ್ಯಶೈಲಿಯ ಕೃತಿಯಿದು) ಕನ್ನಡದ ಆತ್ಮಕತೆಗಳ ಬಗ್ಗೆ ಉಪನ್ಯಾಸ ಮಾಡಿದೆ. ಬಸಳೆಸೊಪ್ಪಿನ ಹೊರೆಯನ್ನು ಅವರ ಕೈಯಿಂದ ಉಡುಗೊರೆ ಕೊಡಿಸಲಾಯಿತು. ಉಪನ್ಯಾಸದ ಬಳಿಕ ಕಾರ್ನಾಡರು ಕೇಳಿದರು: “ಭಾರತದ ಮೊಟ್ಟಮೊದಲ ಆತ್ಮಕಥೆ `ಅರ್ಧಕಥಾನಕ’ ಓದಿದ್ದೀರಾ?” “ಇಲ್ಲ” “ನೀವು ಓದಲೇಬೇಕು. ಅಪರೂಪದ ಪುಸ್ತಕ. 16ನೇ ಶತಮಾನದ್ದು’’. ಬೆಂಗಳೂರಿಗೆ ಹೋದೊಡನೆ ನೆರಳಚ್ಚನ್ನು ಕಳಿಸಿಕೊಟ್ಟರು. ವ್ಯವಹಾರ ಪ್ರಜ್ಞೆಯಿಲ್ಲದವನೂ ಕಾವ್ಯಪ್ರೇಮಿಯೂ ಆದ ಜೈನ ವ್ಯಾಪಾರಿಯೊಬ್ಬನ ರೋಚಕ ಅನುಭವಗಳ ಕಥನವದು.
ಹೀಗೆ ಸಣ್ಣಗೆ ಆರಂಭವಾದ ಪರಿಚಯ `ಅಮೀರಬಾಯಿ ಕರ್ನಾಟಕಿ’ ಪುಸ್ತಕದ ಸನ್ನಿವೇಶದಲ್ಲಿ ಧಕ್ಕೆಗೊಳಗಾಯಿತು. ನಾನು ಅಮೀರಬಾಯಿ ಸಂಶೋಧನೆಗೆಂದು ಪುಣೆ ಮುಂಬೈ ತಿರುಗಾಡುವಾಗ, ಮಹಾರಾಷ್ಟ್ರದಲ್ಲಿ ಕಾರ್ನಾಡರಿಗೆ ಸಿನಿಮಾ ಮತ್ತು ಸಾಹಿತ್ಯ ಕ್ಷೇತ್ರದಲ್ಲಿರುವ ಮರ್ಯಾದೆಯನ್ನು ಗಮನಿಸಿದ್ದೆ. ಮರಾಠಿ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾಡಿದ ದಿಟ್ಟ ಭಾಷಣವು-ಅದರಲ್ಲಿ ರಾಜಕೀಯ ಪಕ್ಷಗಳು ಸೈನೀಕರಣಗೊಳ್ಳುವುದರ ಬಗ್ಗೆ ಕಟುವಾದ ವಿಮರ್ಶೆಯಿದೆ- ಅಲ್ಲಿನ ಲೇಖಕರು ನೆನಪಿಟ್ಟಿದ್ದರು. ಕನ್ನಡ-ಮರಾಠಿ ಸಾಂಸ್ಕøತಿಕ ಬಾಂಧವ್ಯದ ಕೊಂಡಿಯಾಗಿದ್ದ ಅಮೀರಬಾಯಿ ಕುರಿತ ಹೊತ್ತಗೆಯನ್ನು ಅವರೇ ಬಿಡುಗಡೆ ಮಾಡಿದರೆ ಚೆನ್ನವೆನಿಸಿತು. ಹೇಗೂ `ಸಾಹಿತ್ಯ ಸಂಭ್ರಮ’ದ ಕಾರ್ಯಕ್ರಮಕ್ಕಾಗಿ ದಿನ ಮೊದಲೇ ಧಾರವಾಡಕ್ಕೆ ಬರುತ್ತಿದ್ದರು. ಹಿಂದಿನ ದಿನ ಸಂಜೆ ಬಿಡುಗಡೆ ಮಾಡಲು ಸಾಧ್ಯವೇ ಎಂದು ಕೇಳಿದೆ. ಕೂಡಲೇ ಒಪ್ಪಿದರು.
ಆದರೆ ಸಾಹಿತ್ಯ ಸಂಭ್ರಮ ಕಾರ್ಯಕ್ರಮದ ಸ್ವರೂಪದ ಬಗ್ಗೆ ಭಿನ್ನಮತ ವ್ಯಕ್ತಪಡಿಸಿ ನಾನು ಭಾಗವಹಿಸದೆ ಹೊರಗುಳಿದೆ. ಕಾರ್ನಾಡರು ಕರೆ ಮಾಡಿ “ನೀವು ಸಂಭ್ರಮಕ್ಕೆ ಬರಲು ನಿರಾಕರಿಸಿದರಂತೆ. ನಿಜವೇ?’’ ಎಂದು ಕೇಳಿದರು. ಹೌದೆಂದೆ. `ಹಾಗಿದ್ದಲ್ಲಿ ನಿಮ್ಮ ಕಾರ್ಯಕ್ರಮಕ್ಕೆ ಬರಲಾರೆ, ಕ್ಷಮಿಸಿ’ ಎಂದರು. `ಆಗಲಿ’ ಎಂದೆ. ಅವರಿಗೆ ತಾನು ಹಾಗೆ ಮಾಡಿದ್ದು ಸರಿಯಲ್ಲ ಅನಿಸಿರಬೇಕು. ಧಾರವಾಡದಲ್ಲಿರುವ ತಮ್ಮ ಒಡನಾಡಿ ಸುರೇಶ ಕುಲಕರ್ಣಿಯವರೊಟ್ಟಿಗೆ ತಮ್ಮ ಚಡಪಡಿಕೆ ಹಂಚಿಕೊಂಡರಂತೆ. ಆದರೆ ನಾನು ಕಾರ್ಯಕ್ರಮ ಮುಗಿದ ಬಳಿಕ ಪುಸ್ತಕದ ಗೌರವಪ್ರತಿ ಕಳಿಸಿಕೊಟ್ಟೆ. ಚೆನ್ನಾಗಿ ಬಂದಿದೆ ಎಂದು ಪತ್ರ ಬರೆದರು. ಅವರು ಆ ಘಟನೆಯನ್ನು ಮನಸ್ಸಿನಲ್ಲಿ ಇಟ್ಟುಕೊಂಡಂತೆ ಕಾಣಲಿಲ್ಲ. ತಮ್ಮ ಪರಿಚಿತರು ಯಾರಾದರೂ ಹಂಪಿ ನೋಡಬಯಸಿದರೆ, ನನ್ನ ಸಲಹೆ ಪಡೆಯಲು ಹೇಳುತ್ತಿದ್ದರು. ಒಮ್ಮೆ ಅವರ ನಾಟಕಗಳಲ್ಲಿ ನಟಿಸುವ ಬಂಗಾಳದ ನಟಿ ಹಂಪಿಯಲ್ಲಿ ಹಣ ಪಾಸ್ಪೋರ್ಟುಳ್ಳ ಪರ್ಸನ್ನು ಕಳೆದುಕೊಂಡರು. ಕಾರ್ನಾಡರು ಕರೆಮಾಡಿ ಆಕೆಗೆ ಬೆಂಗಳೂರಿನ ತನಕ ಬರಲು ಸಹಾಯ ಮಾಡುವುದು ಸಾಧ್ಯವೇ ಎಂದು ಕೇಳಿದರು.
ಸಂವಾದಕ್ಕೆ ಸದರವಾಗಿ ಸಿಗುವ ಲೇಖಕರಲ್ಲದ ಗಿರೀಶ್, ಬಾಳಿನ ಕೊನೆಯ ದಿನಗಳಲ್ಲಿ ತಮ್ಮ ಲಾಗಾಯ್ತಿನ ಸ್ವಭಾವಕ್ಕೆ ಪ್ರತಿಯಾಗಿ, ಸಾಂಸ್ಕøತಿಕ ನಾಯಕತ್ವದ ದನಿ ಮೊಳಗಿಸಿದರು. ತಮಗೆ ತಪ್ಪೆಂದು ಕಂಡ ವಿಷಯಗಳಲ್ಲಿ ಪರಿಣಾಮ ಲೆಕ್ಕಿಸದೆ ದಿಟ್ಟತನದ ನಿಲುವು ತೆಗೆದುಕೊಂಡರು. ತಮ್ಮ ತಾತ್ವಿಕ ರಾಜಕೀಯ ನಿಲುವಿಗೆ ವಿರುದ್ಧವಿರುವ ದೊಡ್ಡ ಸಾಧಕರನ್ನೂ ಲೆಕ್ಕಿಸದೆ ಶಾಬ್ದಿಕ ಹಿಂಸೆಗೆ ಗುರಿಪಡಿಸುವ ಈಚಿನ ಪದ್ಧತಿಗೆ ಬಲಿಯೂ ಆದರು. ಗೌರಿಲಂಕೇಶ್ ಸ್ಮರಣ ಕಾರ್ಯಕ್ರಮಕ್ಕೆ `ನಾನೂ ನಗರ ನಕ್ಸಲ್’ ಎಂದು ಕೊರಳಿಗೆ ಬೋರ್ಡು ಸಿಕ್ಕಿಸಿಕೊಂಡು ಬಂದ ಸನ್ನಿವೇಶ ನೆನಪಾಗುತ್ತಿದೆ. ಅದು ತೀರಾ ನಾಟಕೀಯವಾಗಿತ್ತು. ಆದರೆ ಅವರ ಸ್ಪಷ್ಟತೆ ಧೈರ್ಯ ಸಿಟ್ಟು ಹತಾಶೆ ಆಕ್ಟಿವಿಸಂಗಳ ಆತ್ಯಂತಿಕ ರೂಪಕವಾಗಿತ್ತು. ಆರೋಗ್ಯ ಸರಿಯಿರಲಿಲ್ಲ. ಕೈಯಲ್ಲಿ ಆಮ್ಲಜನಕದ ಸಿಲಿಂಡರನ್ನು ಹಿಡಿದಿದ್ದರು. ಅಪರಾಧಿಗಳ ಕೊರಳಿಗೆ ಫಲಕ ತೂಗುಹಾಕುವುದು ಕ್ರಮವಿದೆ. ಶಿಲುಬೆಗೇರಿದ ಕ್ರಿಸ್ತನ ಕೊರಳಿಗೂ `ನಜರೇತಿನ ಅರಸ’ ಎಂಬ ವ್ಯಂಗ್ಯದ ಫಲಕ ತೂಗಿಸಲಾಗಿತ್ತು. ಆದರೆ ಕಾರ್ನಾಡರು ಇದನ್ನು ಸ್ವತಃ ಧಾರಣಮಾಡಿದ್ದರು. `ವಿಚಾರ ಮಾಡುವುದು, ಪ್ರಭುತ್ವವನ್ನು ವಿಮರ್ಶಿಸುವುದು, ಮತಧರ್ಮದ ಹಿಂಸೆ ಖಂಡಿಸುವುದು ಅಪರಾಧವಾದರೆ ನಾನೂ ಅಪರಾಧಿ’ ಎಂಬ ನಾಟಕೀಯ ತಪ್ಪೊಪ್ಪಿಗೆಯನ್ನು ಅದು ಒಳಗೊಂಡಿತ್ತು. ಜನಪದ ಮಿತ್ ಮತ್ತು ಪುರಾಣಗಳನ್ನು ನಾಟಕಗಳಿಗೆ ದುಡಿಸಿಕೊಂಡ ಕಾರ್ನಾಡರು ನಾಗರಿಕ ಹಕ್ಕುಗಳ ವಿಷಯ ಬಂದರೆ, ಮುಕ್ತ ಸಮಾಜದ ಪರವಾದ ಆಕ್ಸಫರ್ಡ್ ಪದವೀಧರರೇ. ನಾಗರಿಕ ಸಮಾಜವೊಂದರಲ್ಲಿ ಸಹಜವಾಗಿ ಇರಬೇಕಾದ ಸ್ವಾತಂತ್ರ್ಯದ ಪರವಾಗಿ ಅವರು ಸದಾ ಆಲೋಚಿಸುತ್ತಿದ್ದರು. ಫಲಕದಲ್ಲಿರುವ ಬರೆಹವು ಸ್ವಹಸ್ತಾಕ್ಷರದಲ್ಲಿತ್ತು. ದೇಶದ ಸುದ್ದಿಯಾಗಬೇಕೆಂದೇ ಇಂಗ್ಲೀಶಿನಲ್ಲಿತ್ತು. ಅದರಲ್ಲಿ ದೇಶೀಭಾಷೆಯ ಲೇಖಕ ಎಂಬುದನ್ನು ದಾಖಲಿಸುವಂತೆ `ನಾನು ಕೂಡ’ ಎಂಬ ಎರಡು ಪದಗಳು ಕನ್ನಡದಲ್ಲಿದ್ದವು. ಉಸಿರ್ಗಟ್ಟಿಸುವ ಸನ್ನಿವೇಶಕ್ಕೆ ತುಡಿಯುವಂತೆ ಕೈಯಲ್ಲಿ ಆಕ್ಸಿಜನ್ ಸಿಲಿಂಡರಿತ್ತು.
ಅದೊಂದು ಅಭಿಮಾನ ಉಕ್ಕಿಸುವ ಮತ್ತು ಎದೆಕರಗಿಸುವ ಚಿತ್ರ; ಸಮಾಜದ ಹದುಳಕ್ಕಾಗಿ ತನ್ನ ಬೇನೆಯಲ್ಲೂ ಲೇಖಕ ರಿಸ್ಕ್ ತೆಗೆದುಕೊಳ್ಳುವ ಪ್ರತೀಕ. ಕಾರ್ನಾಡರಲ್ಲಿ ಲೆಕ್ಕಾಚಾರ ದ್ವಂದ್ವ ಇರಲಿಲ್ಲ. ಅಂತರಂಗಕ್ಕೆ ಸರಿಯೆನಿಸಿದ್ದನ್ನು ಹೇಳುವ-ಮಾಡುವ ಪ್ರಾಮಾಣಿಕತೆಯಿತ್ತು. ಇದು ಅವರ ಶವಸಂಸ್ಕಾರದಲ್ಲೂ ವ್ಯಕ್ತವಾಯಿತು. ಅವರು ಸತ್ತು ದೊಡ್ಡವರಾದವರು; ಅವರನ್ನು ಕೆಟ್ಟದಾಗಿ ನಡೆಸಿಕೊಂಡು ಬದುಕಿರುವ ನಾವು ಸಣ್ಣವರಾದೆವು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoಬೆಂಗಳೂರು ಕಟ್ಟಡ ತೆರವು ಕಾರ್ಯಾಚರಣೆ: 18 ಅಂತಸ್ತಿನ ಅಪಾರ್ಟ್ಮೆಂಟ್ಗೆ ‘ಡೆಮಾಲಿಷನ್’ ಶುರು!
-
ದಿನದ ಸುದ್ದಿ5 days agoಕಲಬುರಗಿ ಪಾಲಿಕೆಯಲ್ಲಿ ಮತ್ತೆ ಕಾಂಗ್ರೆಸ್ ಮೇಲುಗೈ: ಮೇಯರ್-ಉಪ ಮೇಯರ್ ಸ್ಥಾನವೂ ‘ಕೈ’ ತೆಕ್ಕೆಗೆ!
-
ದಿನದ ಸುದ್ದಿ5 days agoವಾಲ್ಮೀಕಿ ಹಗರಣದ ಕಿಡಿ ಮತ್ತೆ ಬಳ್ಳಾರಿಯಲ್ಲಿ: ನಾಗೇಂದ್ರ ವಿರುದ್ಧ ಜನಾರ್ಧನ ರೆಡ್ಡಿ ವಾಗ್ದಾಳಿ, ಕಾಂಗ್ರೆಸ್ಗೆ ರಾಜೀನಾಮೆ ಸವಾಲು!
-
ದಿನದ ಸುದ್ದಿ2 days agoಬಿಜೆಪಿ ರೈತ ಮೋರ್ಚಾದಿಂದ ಬಂದ್ಗೆ ಕರೆ; ಹಲವು ವೃತ್ತಗಳಲ್ಲಿ ಟೈರ್ಗೆ ಬೆಂಕಿ, ಬೆಂಕಿ ನಂದಿಸಿದ ಪೊಲೀಸರು
-
ದಿನದ ಸುದ್ದಿ6 days agoವೈದ್ಯಕೀಯ ಕಾಲೇಜುಗಳ ಹಾಸ್ಟೆಲ್ ಕ್ಯಾಂಟೀನ್ಗಳಿಗೆ ಅಧಿಕಾರಿಗಳ ಶಾಕ್! 34 ಕ್ಯಾಂಟೀನ್ ಪರಿಶೀಲನೆ, 5ಕ್ಕೆ ನೋಟಿಸ್
-
ದಿನದ ಸುದ್ದಿ5 days agoTrump Oil Deal: ವೆನೆಜುವೆಲಾದ 65 ಬಿಲಿಯನ್ ಬ್ಯಾರೆಲ್ ತೈಲದ ಮೇಲೆ ಅಮೆರಿಕದ ಕಣ್ಣು; ಇದು ವಿಶ್ವದ ಅತಿದೊಡ್ಡ ಡೀಲ್ನಾ?
-
ದಿನದ ಸುದ್ದಿ6 days agoಪಾಕ್ ಗಡಿಯಿಂದ ಡ್ರೋನ್ ಎಂಟ್ರಿ ಶಂಕೆ: ಪೂಂಚ್ನಲ್ಲಿ ಹೈ ಅಲರ್ಟ್, 3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಬೇಟೆ
-
ದಿನದ ಸುದ್ದಿ3 days agoಕುಂದುಕೊರತೆಗಳಿಗೆ ತ್ವರಿತ ಪರಿಹಾರ ನೀಡಲು ಏಕೀಕೃತ ವ್ಯವಸ್ಥೆ; ಶನಿವಾರ ಜನಸಂಪರ್ಕ, ಬುಧವಾರ ಮೂರು ಹಂತದ ಪರಿಶೀಲನೆ

