ಅಂತರಂಗ
ಅರಿಮೆಯ ಅರಿವಿರಲಿ-34 : ಕೌಟುಂಬಿಕ ವ್ಯವಹಾರ
- ಯೋಗೇಶ್ ಮಾಸ್ಟರ್
ಒಬ್ಬ ವ್ಯಕ್ತಿ ಆ ಒಂದು ಘಟನೆಯ ಮುಂಚೆ ಆರೋಗ್ಯಕರವಾಗಿದ್ದ. ಆದರೆ ಆ ಘಟನೆಯ ನಂತರ ಪೂರ್ತಿ ಅಸ್ವಸ್ಥ. ಅದು ಕೆಲವು ಘಟನೆಗಳು ಮಾಡುವ ಆಘಾತ. ಈ posttraumatic embitterment disorder (PTED) ವಕ್ಕರಿಸಿದ ನಂತರ ಎಷ್ಟು ಕಾಲ ಇರುವುದೋ, ಏನೇನೆಲ್ಲಾ ಪ್ರಭಾವಗಳನ್ನು ಬೀರುವುದೋ ಹೇಳಲಾಗದು. ಗಂಡ ಹೆಂಡಿರ ನಡುವಿನ ಜಗಳ ಹೆಚ್ಚಾಗಿ ಇಬ್ಬರಿಗೂ ಸಹಿಸಲು ಸಾಧ್ಯವಾಗುವುದಿಲ್ಲ ಎಂದಾದಾಗ ನ್ಯಾಯಾಲಯದ ಮೊರೆ ಹೋಗಿ ವಿಚ್ಛೇದನೆ ಪಡೆದುಕೊಳ್ಳುತ್ತಾರೆ.
ಆದರೆ ಈ ವಿಚ್ಛೇದನೆಯ ನಂತರ ಭೌತಿಕವಾಗಿ, ಲೌಕಿಕವಾಗಿ ಇಬ್ಬರಿಗೂ ಅಂತರವೇನೋ ಉಂಟಾಗುತ್ತದೆ. ಆದರೆ, ಇಬ್ಬರಲ್ಲೂ ಮಾನಸಿಕವಾದಂತಹ ಒಂದು ಛಾಯೆ ಆವರಿಸಿಯೇ ಇರುತ್ತದೆ. ಆದ್ದರಿಂದಲೇ ವಿಚ್ಛೇದನೆಯ ನಂತರ ಇಬ್ಬರಿಗೂ ಆಪ್ತ ಸಮಾಲೋಚನೆಯ ಅಗತ್ಯವಿರುತ್ತದೆ. ಅದರಲ್ಲೂ ಮಕ್ಕಳೇನಾದರೂ ಇದ್ದಲ್ಲಿ ಈ ಬಗೆಯ ಸಮಾಲೋಚನೆಯ ಅಗತ್ಯ ಹೆಚ್ಚಿರುತ್ತದೆ.
ಒಂದೇ ಬಳ್ಳಿಯ ಹೂಗಳು
ಗಂಡ ಹೆಂಡರ ಸಂಬಂಧವೇನೋ ಕಾನೂನಾತ್ಮಕವಾಗಿ ಕತ್ತರಿಸಿಕೊಳ್ಳಲಾಗುವುದು. ಆದರೆ ಅದಕ್ಕಿಂತಲೂ ಕೆಟ್ಟದಾದ ಸಂಘರ್ಷಗಳು ವಿಚ್ಛೇದನದ ವ್ಯಾಪ್ತಿಗೇ ಬರದಂತಹ ಕೌಟುಂಬಿಕ ಸಂಬಂಧಗಳಲ್ಲಿರುತ್ತವೆ. ಅವುಗಳನ್ನು ಹೇಗೆ ಕತ್ತರಿಸಿಕೊಳ್ಳಲಾಗುತ್ತದೆ. ಒಂದೇ ಕಳ್ಳುಬಳ್ಳಿ, ಒಂದೇ ರಕ್ತ, ಹೆತ್ತ ತಾಯಿ ತಂದೆ, ಒಡಹುಟ್ಟಿದವರು; ಹೀಗೆ ಭಾವುಕ ಕಟ್ಟುಗಳು ಬಿಗಿದಿರುತ್ತವೆ. ಈ ಭಾವುಕತೆಯು ಮತ್ತದೇ ಸಮಾಜ ಸೃಷ್ಟಿಸಿರುವುದು. ಮಗ ತಾಯಿಯ ಜೊತೆ ಜಗಳ ಮಾಡಿದರೆ ಸಮಾಜವೇ ಹೇಳುತ್ತದೆ. ಅವಳು ಹೆತ್ತ ತಾಯಿ ನೀನು ಹೀಗೆ ವರ್ತಿಸಬಾರದು ಎಂದು.
ಹೀಗಾಗಿ ಎಷ್ಟೆಷ್ಟೋ ಮನೆಗಳಲ್ಲಿ ಕುಟುಂಬದ ಸದಸ್ಯರು ತಮ್ಮ ತಮ್ಮ ನಡುವೆ ಗೋಡೆಗಳನ್ನು ಕಟ್ಟಿಕೊಂಡು ವಾಸಿಸುತ್ತಿರುತ್ತಾರೆ. ಹೊರಗಿನ ನೋಟಕ್ಕೆ ಅವರು ಒಂದೇ ಮನೆಯ ಒಂದು ಕುಟುಂಬದ ಸದಸ್ಯರು. ಆದರೆ ಅವರ ನಡುವೆ ದೊಡ್ಡ ದೊಡ್ಡ ಕಂದಕಗಳು ಇದ್ದು, ಅವರು ಅವುಗಳನ್ನು ಎಂದಿಗೂ ದಾಟದಂತಹ ಸ್ಥಿತಿಯಲ್ಲಿ ಇರುತ್ತಾರೆ. ಪ್ರತಿದಿನವೂ ಒಬ್ಬರಿಗೊಬ್ಬರು ಅನುಮಾನಿಸುತ್ತಿರುತ್ತಾರೆ, ಅಪಮಾನಿಸುತ್ತಿರುತ್ತಾರೆ, ತಿಕ್ಕಾಟಗಳು ನಡೆಯುತ್ತಲೇ ಇರುತ್ತವೆ. ಯಾರಾದರೂ ಸತ್ತಾಗ ಎಲ್ಲರೂ ಒಟ್ಟಿಗೇ ಹೋಗುತ್ತಾರೆ. ಮದುವೆಯೇ ಮೊದಲಾದ ಸಮಾರಂಭಗಳಿಗೆ ಒಟ್ಟಿಗಿರುತ್ತಾರೆ.ಅವರ ನಡುವೆ ನಡೆಯುವ ಎಲ್ಲಾ ವಿದ್ಯಮಾನಗಳೂ ಕೌಟುಂಬಿಕ ವ್ಯವಹಾರ.ವ್ಯಾವಹಾರಿಕವಾಗಿರುವ ಕೌಟುಂಬಿಕ ಸಂಬಂಧಗಳು ಪರಸ್ಪರ ಸೇಡಿನ ಮನೋಭಾವವನ್ನು ಗಾಢಗೊಳಿಸುತ್ತಿರುತ್ತದೆ.
ಕಾರಣ ಬೇಡದ ಆಪ್ತತೆಗಳು
ವಾಸ್ತವವಾಗಿ ಸಂಬಂಧಗಳು ಭಾವನಾತ್ಮಕವಾಗಿರಲು ಆ ಸಂಬಂಧಕ್ಕೆ ಹೆಸರೇ ಬೇಕಾಗಿರುವುದಿಲ್ಲ. ಆತ್ಮೀಯತೆ ಮತ್ತು ಆಪ್ತತೆಯು ವ್ಯಕ್ತಿಗಳ ನಡುವೆ ಅಕಾರಣವಾಗಿಯೋ, ಕಾರಣವಿದ್ದೋ ಬೆಳೆಯುವುದು. ಆ ಬಗೆಯ ಸಂಬಂಧಗಳು ಮುದ ಕೊಡುತ್ತಿರುತ್ತವೆ ಮತ್ತು ಸಾಂತ್ವಾನ ನೀಡುತ್ತಿರುತ್ತವೆ.
ಬಹುಕಾಲದಿಂದ ನೋಡಿರುವ ಮನೆಯೊಳಗಿನ ವ್ಯಕ್ತಿಯು ಹೀಗೆ ಎಂಬ ಹಣೆಪಟ್ಟಿ ಕಟ್ಟಿ ಅವನ ಬೇರೆ ಯಾವ ಬದಲಾವಣೆಯನ್ನೂ ನೋಡಲು ಮತ್ತೊಂದು ವ್ಯಕ್ತಿಗೆ ಇಚ್ಛೆಯೇ ಇರುವುದಿಲ್ಲ.
ಹಾಗಾಗಿ, ವ್ಯಕ್ತಿಯಲ್ಲಿನ ಆಲೋಚನೆಗಳಲ್ಲಿ, ವಿಚಾರಗಳಲ್ಲಿ, ಧೋರಣೆಗಳಲ್ಲಿ ಬದಲಾವಣೆಯು ಶುರುವಾಗಿದ್ದರೂ ಆ ವ್ಯಕ್ತಿಯ ಬಗ್ಗೆ ತಾನು ಹಾಕಿಕೊಂಡಿರುವ ಕನ್ನಡಕದ ಮೂಲಕವೇ ನೋಡುವುದರಿಂದ ಆ ಬದಲಾವಣೆಗಳನ್ನು ಗುರುತಿಸಲಾಗುವುದಿಲ್ಲ. ತಿರಸ್ಕಾರದ ಭಾವ ಎಷ್ಟು ಗಾಢವಾಗಿರಬಹುದೆಂದರೆ ಅಂತಹ ಬದಲಾವಣೆಗಳನ್ನು ಬಯಸುವುದೂ ಇಲ್ಲ. ಕೆಲವರು ತಮ್ಮ ಮನೆಯ ಸದಸ್ಯರ ನಡುವೆ ಜಗಳವಾಗಿ ಸಮಾಲೋಚನೆಗೆಂದು ಬಂದಾಗ, “ನೀವು ಹೀಗೆ ವರ್ತಿಸಿ, ಹೀಗೆ ಪ್ರತಿಕ್ರಿಯೆಗಳನ್ನು ನೀಡಿ. ಅವರು ಬದಲಾಗಬಹುದು. ಸರಿ ಹೋಗುವ ಸಾಧ್ಯತೆಗಳಿವೆ.
ಅವರಿಗೆ ಇಂತಹ ಸಮಸ್ಯೆ ಇದೆ. ಆ ಸಮಸ್ಯೆ ನಿವಾರಣೆಯಾಗಬೇಕೆಂದರೆ ನೀವು ಹೀಗೆ ಮಾಡಬೇಕೆಂದು” ಸಲಹೆ ನೀಡಿದರೆ, “ಇಲ್ಲ ಸಾರ್, ಅವರು ಸರಿ ಹೋಗುವುದಿಲ್ಲ. ನಾನಿಷ್ಟು ವರ್ಷಗಳಿಂದ ನೋಡಿದ್ದೇನಲ್ಲವಾ? ಅವರು ಎಂದಿಗೂ ಸರಿ ಹೋಗುವುದಿಲ್ಲ” ಎಂದು ನಕಾರಾತ್ಮಕವಾಗಿಯೇ ಪ್ರತಿಕ್ರಿಯಿಸುತ್ತಾರೆ. ನಿಜ ಹೇಳಬೇಕೆಂದರೆ ಇವರಿಗೂ ಅವರು ಸರಿ ಹೋಗುವುದು ಬೇಡ. ಇವರು ಅವರ ಬಗ್ಗೆ ಈ ಹಿಂದೆ ದೂರಿರುವುದು, ಈಗ ದೂರುತ್ತಿರುವುದು; ಯಾವುದೂ ಸುಳ್ಳಾಗಬಾರದು. ಅಷ್ಟೇ ಅಲ್ಲ. ಇವರು ಅವರಿಗೆ ‘ಹೀಗೆ’ ಎಂದು ಕಟ್ಟಿರುವ ಹಣೆಪಟ್ಟಿಯು ವಿಫಲವಾಗಬಾರದು. ಈ ಬಗೆಯ ಸಮಸ್ಯೆಗಳು ಕೂಡಾ ತನ್ನೊಡನೆ ಬಾಳುತ್ತಿರುವ ವ್ಯಕ್ತಿಯ ಬದಲಾವಣೆಯನ್ನು ನೋಡಲು ಸಮ್ಮತಿಸುವುದಿಲ್ಲ.
ಅಕ್ಕ ತಂಗಿಯ ನಡುವಿನ ಸಂಘರ್ಷದಲ್ಲಿ ಅಕ್ಕ ತನ್ನ ತಂಗಿಯನ್ನು ಖಳನಾಯಕಿಯನ್ನಾಗಿ ಚಿತ್ರಿಸಿರುವಾಗ ಅವಳು ಒಮ್ಮಿಂದೊಮ್ಮೆಲೇ ಯಾವುದೇ ಕಾರಣಕ್ಕೆ ಒಳ್ಳೆಯವಳಾಗಿ ನಾಯಕಿಯಾಗಲು ಅಕ್ಕಗೆ ಇಷ್ಟವಿರುವುದಿಲ್ಲ. ಅವಳು ಒಳ್ಳೆಯವಳಾಗಿಬಿಟ್ಟರೆ, ತಾನು ದೂರಿರುವವರ ಮುಂದೆ ಸುಳ್ಳಿಯಾಗಿಬಿಡುತ್ತೇನೆ ಎಂಬ ಆತಂಕ. ಇದು ಸೇಡಿನ ಮನೋಭಾವವೇ. ಹೀಗೆ ಜೀವನ ಪೂರ್ತಿ ತಮ್ಮ ಮನಸ್ಸಿನ ಸ್ವಾಸ್ಥ್ಯವನ್ನು ಪದೇಪದೇ ಹಾಳುಗೆಡವಿಕೊಳ್ಳುತ್ತಲೇ ಇರುತ್ತಾರೆ.
ಸೇಡಿನ ರೋಗದ ಲಕ್ಷಣಗಳು
ಸೇಡಿನ ರೋಗದ ಲಕ್ಷಣಗಳೇನೆಂದರೆ, ತಮ್ಮ ಖಿನ್ನತೆ, ಬಳಲಿಕೆ, ಅಹಿತಕರವಾದ ಸ್ಥಿತಿಗೆ ಯಾರು ಕಾರಣ ಮತ್ತು ಯಾವುದು ಕಾರಣ ಎಂದು ತಿಳಿದಿರುತ್ತಾರೆ. ತನಗೆ ಆಗಿರುವುದು ಅನ್ಯಾಯ, ದ್ರೋಹ ಎಂದು ಸ್ಪಷ್ಟವಾಗಿ ತಿಳಿದಿರುತ್ತಾರೆ. ಆ ಸಂಗತಿ ಅಥವಾ ವ್ಯಕ್ತಿಯ ಕಾರಣದಿಂದ ತಾನು ಈ ಅಸಹಾಯಕ ಸ್ಥಿತಿಯಲ್ಲಿದ್ದೇನೆ, ಕೋಪಗೊಂಡಿದ್ದೇನೆ, ಆಘಾತಗೊಂಡಿದ್ದೇನೆ ಎಂದು ಪದೇ ಪದೇ ನೆನೆಸಿಕೊಳ್ಳುತ್ತಿರುತ್ತಾರೆ.
ಸಾಧ್ಯವಾದ ಕಡೆಗಳಲ್ಲೆಲ್ಲಾ ಹೇಳುತ್ತಿರುತ್ತಾರೆ ಮತ್ತು ಹಾಗೆ ಹೇಳುವಾಗ ಪದೇ ಪದೇ ನೆನಪಿಸಿಕೊಳ್ಳುವುದರಿಂದ ಅವರು ಅವರ ಬಗ್ಗೆ ಹೊಂದಿರುವ ನಕಾರಾತ್ಮಕವಾದ ಆಲೋಚನೆಯು ಬಲಗೊಳ್ಳುತ್ತಿರುತ್ತದೆ. ಹಾಗೂ ಅದರ ಕುರಿತಾದ ಭಾವನಾತ್ಮಕವಾದ ನೋವು ಆಳವಾಗುತ್ತಾ ಹೋಗುತ್ತದೆ. ಮಾನಸಿಕವಾಗಿ ಆ ನೋವನ್ನು ಜೀವಂತವಾಗಿಡುವ ಕಾರಣದಿಂದ ಭಾವನಾತ್ಮಕವಾಗಿ ಆ ನೋವು ನಿಜವಾಗಿ ಇಲ್ಲದಿದ್ದರೂ, ಕೃತಕವಾಗಿಯಾದರೂ ಶೋಕ, ಖಿನ್ನತೆ ಮತ್ತು ಆಘಾತವನ್ನು ಪ್ರದರ್ಶಿಸುವ ಅನಿವಾರ್ಯತೆ ಅವರಿಗಿರುತ್ತದೆ.
ಇನ್ನೂ ಕೆಲವರಿಗೆ ಅದೊಂದು ರೀತಿಯಲ್ಲಿ ಅಡಗಿಕೊಂಡಿರುವ ನಾಗರದಂತೆ ಇದ್ದು, ನೆನಪಿನ ಬುಟ್ಟಿ ತೆರೆದಾಗೆಲ್ಲಾ ಹೆಡೆ ಎತ್ತಿ ರೋಷದಿಂದ ಬುಸುಗುಡುತ್ತದೆ ಮತ್ತು ಕಚ್ಚಲು ಪ್ರಯತ್ನಿಸುತ್ತಲೇ ಇರುತ್ತದೆ. ಆ ಒಂದು ದಿನ ಅನುಭವಿಸಿದ ನೋವು, ನಿರಾಸೆ, ಕೋಪ ಮತ್ತು ಅಸಹಾಯಕತೆಗಳನ್ನೆಲ್ಲಾ ಮತ್ತೆ ಮತ್ತೆ ನೆನಪಿನೊಂದಿಗೆ ಮರುಕಳಿಸುವಂತೆ ಮಾಡಿಕೊಳ್ಳುತ್ತಾರೆ. ತಾವು ಸಂಘರ್ಷವನ್ನು ಹೊಂದಿರುವ ವ್ಯಕ್ತಿಯ ಜೊತೆ ಮತ್ತೆ ಸಂಬಂಧವನ್ನು ಸರಿಮಾಡಿಕೊಳ್ಳಲು ಇವರಿಗೇ ಸಲಹೆ ಮತ್ತು ನಿರ್ದೇಶನಗಳನ್ನು ಕೊಡಲು ಪ್ರಾರಂಭಿಸಿದರೆ, ಇವರ ಸಂಬಂಧವನ್ನೇ ಕಡೆದುಕೊಳ್ಳಬಹುದು.
ಏಕೆಂದರೆ ಈಗ ಅವರಿಗೆ ಬೇಕಾಗಿರುವುದು ಸಂಬಂಧದಲ್ಲಿ ಸುಧಾರಣೆಯಲ್ಲ. ತಮ್ಮ ನೋವಿಗೆ ಪ್ರತಿಕಾರವನ್ನು ತೀರಿಸಿಕೊಳ್ಳಬೇಕು. ಸೇಡು! ಅದು ಎಷ್ಟರಮಟ್ಟಿಗೆ ಮುಟ್ಟಬಹುದು ಎಂದರೆ, ಕೊಲೆ ಅಥವಾ ಆತ್ಮಹತ್ಯೆಯವರೆಗೂ ಹೋಗಬಹುದು.
ಇದಕ್ಕೆ ಪರಿಹಾರವೆಂದರೆ, ಪ್ರತಿಯೊಂದನ್ನು ತನ್ನ ಆಲೋಚನೆಯಂತೆಯೇ ನೋಡುವುದನ್ನು ನಿಲ್ಲಿಸುವುದು. ಅಂದರೆ ಯಾವುದೇ ಒಂದು ವಸ್ತುವನ್ನು, ಸಂಗತಿಯನ್ನು ಅಥವಾ ವ್ಯಕ್ತಿಯನ್ನು ತಮ್ಮಲ್ಲಿ ಈಗಾಗಲೇ ಇರುವಂತಹ ಆಲೋಚನೆಗಳ ಚೌಕಟ್ಟಿನಲ್ಲಿ ಅಳವಡಿಸದಂತಹ ಎಚ್ಚರಿಕೆಯನ್ನು ಹೊಂದುವುದು.
ಯಾವುದೇ ವ್ಯಕ್ತಿಯನ್ನು ನೋಡಿದ ಕೂಡಲೇ “ಇವರು ಹೀಗೆ” ಎಂದು ಭಾವ ಮೂಡುತ್ತಿದ್ದಂತೆ ಎಚ್ಚರಿಕೆಯನ್ನು ಹೊಂದುವುದು. ಯಾರಿಗೂ ಹಣೆಪಟ್ಟಿಯನ್ನು ಕಟ್ಟದೇ, ತಾನೂ ಕಟ್ಟಿಕೊಳ್ಳದಂತೆ ಇರುವ ಅಭ್ಯಾಸವನ್ನು ಉದ್ದೇಶಪೂರ್ವಕವಾಗಿ ಮತ್ತು ಪ್ರಜ್ಞಾಪೂರ್ವಕವಾಗಿ ಮಾಡುವುದು. ಯಾವುದೋ ಕಾಗದವನ್ನು ಬರೆಯುತ್ತೀರಿ. ಅದು ಸರಿಹೋಗಲಿಲ್ಲವೆಂದರೆ ಬೇಸರದಿಂದ ಹರಿದು ಚೂರು ಚೂರು ಮಾಡದೇ ಅದನ್ನು ಹಾಗೆಯೇ ಪಕ್ಕಕ್ಕಿರಿಸುವುದು ರೂಢಿ ಮಾಡಿಕೊಳ್ಳಬೇಕು. ಯಾವುದಾದರೂ ವಸ್ತುಗಳಿಂದ ಕೆಲಸ ಮಾಡುತ್ತಿದ್ದಾಗ ಅವು ಸರಿಹೋಗದಿದ್ದರೆ ಅದನ್ನು ನಾಶ ಮಾಡುವ ರೂಢಿ ಇದ್ದರೆ ಅದನ್ನು ಮೊದಲು ತಪ್ಪಿಸಬೇಕು.
ಎಲ್ಲದರಲ್ಲೂ ನನಗೇನು ಲಾಭ ಎನ್ನುವಂತಹ ಆಲೋಚನೆಯೇ ಒಂದು ಮಾನಸಿಕ ಸಮಸ್ಯೆ. ಯಾರಿಂದ, ಯಾವುದರಿಂದ ನನಗೇನಾಗಬೇಕಿದೆ ಎಂಬ ಜಿಗುಪ್ಸೆಯೂ ಕೂಡಾ ಅದೇ ಮಾನಸಿಕ ಸಮಸ್ಯೆಯ ಮತ್ತೊಂದು ಮುಖ. ಕನ್ನಡಕವಿಲ್ಲದೇ, ಲಾಭ ನಷ್ಟಗಳ ಆಲೋಚನೆ ಇಲ್ಲದೆ ಸಂಗತಿಗಳನ್ನು ಮತ್ತು ವ್ಯಕ್ತಿಗಳನ್ನು ನೋಡುವ ಜಾಣರು ತಮ್ಮ ಮನದಲ್ಲಿ ಗಾಯ ಮಾಡಿಕೊಳ್ಳಲಾರರು ಮತ್ತು ಅದನ್ನು ಪದೇ ಪದೇ ಕೆರೆದುಕೊಂಡು ಹುಣ್ಣು ಮಾಡಿಕೊಳ್ಳಲಾರರು.
ತರಚು ಗಾಯವ ಕೆರೆದು ಹುಣ್ಣನಾಗಿಪುದು ಕಪಿ
ಕೊರತೆಯೊಂದನು ನೀನು ನೆನೆನೆನೆದು ಕೆರಳಿ
ಧರೆಯಲ್ಲವನು ಶಪಿಸಿ ಮನದಿ ನರಕವ ನಿಲಿಸಿ
ನರಳುವುದು ಬದುಕೇನೋ ಮಂಕುತಿಮ್ಮ.
(ಮುಂದುವರಿಯುವುದು)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ
ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ ಕಂಠಸಿರಿಯಿಂದ ಆರು ದಶಕಗಳಿಗೂ ಹೆಚ್ಚು ಕಾಲ ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯವನ್ನು ಗೆದ್ದಿದ್ದ ಈ ಮಹಾನ್ ಹಿನ್ನೆಲೆ ಗಾಯಕಿ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನವು ಕೇವಲ ಒಬ್ಬ ಗಾಯಕಿಯ ಅಗಲಿಕೆಯಲ್ಲ; ಭಾರತೀಯ ಸಂಗೀತ ಪರಂಪರೆಯ ಒಂದು ಮಹತ್ತರ ಯುಗದ ಅಂತ್ಯವಾಗಿದೆ.
ಸಂಗೀತವು ಭಾಷೆಯ ಎಲ್ಲೆಗಳನ್ನು ಮೀರಿ ಹೃದಯವನ್ನು ತಲುಪುವ ಮಾಧ್ಯಮ. ಆ ಸತ್ಯವನ್ನು ತಮ್ಮ ಗಾಯನದ ಮೂಲಕ ಸಾಬೀತುಪಡಿಸಿದ ಕಲಾವಿದೆ ಎಸ್. ಜಾನಕಿ. ಅವರು ಹಾಡಿದ ಸಾವಿರಾರು ಗೀತೆಗಳು ಇಂದಿಗೂ ಪ್ರೀತಿ, ವಿರಹ, ಭಕ್ತಿ, ಮಾತೃತ್ವ, ಸಂತೋಷ ಮತ್ತು ಬದುಕಿನ ಸೂಕ್ಷ್ಮ ಭಾವನೆಗಳಿಗೆ ಧ್ವನಿಯಾಗಿವೆ. ಅವರ ಕಂಠ ಕೇಳಿದ ಕ್ಷಣವೇ ಹಾಡಿನ ಪಾತ್ರ ಜೀವಂತವಾಗಿ ಕಣ್ಣೆದುರು ಮೂಡುತ್ತಿತ್ತು. ಅದೇ ಅವರ ಗಾಯನದ ಮಹತ್ವ.
ಸಾಮಾನ್ಯ ಕುಟುಂಬದಿಂದ ಸಂಗೀತ ಸಾಮ್ರಾಜ್ಯದವರೆಗೆ
1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ಸಮೀಪ ಜನಿಸಿದ ಜಾನಕಿ, ಬಾಲ್ಯದಿಂದಲೇ ಸಂಗೀತದತ್ತ ಅತೀವ ಆಸಕ್ತಿ ಹೊಂದಿದ್ದರು. ಮನೆಯಲ್ಲಿದ್ದ ಸಂಗೀತದ ವಾತಾವರಣವೇ ಅವರ ಪ್ರತಿಭೆಗೆ ಮೊದಲ ಪ್ರೇರಣೆ. ಸಂಪ್ರದಾಯಬದ್ಧ ಸಂಗೀತ ಶಿಕ್ಷಣ ಸೀಮಿತವಾಗಿದ್ದರೂ, ದೇವರು ನೀಡಿದ ಸಹಜ ಕಂಠವೇ ಅವರನ್ನು ಅಪರೂಪದ ಗಾಯಕಿಯನ್ನಾಗಿ ರೂಪಿಸಿತು.
ಕುಟುಂಬದ ಬೆಂಬಲದೊಂದಿಗೆ ಅವರು ಆಗಿನ ಮದ್ರಾಸಿಗೆ ತೆರಳಿ ಹಿನ್ನೆಲೆ ಗಾಯನದಲ್ಲಿ ಅವಕಾಶ ಹುಡುಕಿದರು. ಆರಂಭದ ದಿನಗಳು ಸುಲಭವಾಗಿರಲಿಲ್ಲ. ಆದರೆ ಪ್ರತಿಭೆ, ಶ್ರಮ ಮತ್ತು ಸಂಗೀತದ ಮೇಲಿನ ಅಚಲ ನಿಷ್ಠೆ ಅವರನ್ನು ಬೇಗನೇ ಸಂಗೀತ ನಿರ್ದೇಶಕರ ಗಮನಕ್ಕೆ ತಂದಿತು. 1957ರಲ್ಲಿ ಆರಂಭವಾದ ಅವರ ಗಾಯನಯಾನ, ನಂತರ ಭಾರತದ ಸಂಗೀತ ಇತಿಹಾಸದಲ್ಲೇ ಅತ್ಯಂತ ದೀರ್ಘ ಹಾಗೂ ಯಶಸ್ವಿ ಪಯಣಗಳಲ್ಲಿ ಒಂದಾಗಿ ಬೆಳೆಯಿತು.
ಭಾಷೆಗಳ ಗಡಿಗಳನ್ನು ಮೀರಿ ಮೊಳಗಿದ ಧ್ವನಿ
ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ, ಒಡಿಯಾ, ತುಳು, ಕೊಂಕಣಿ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ಅವರು ಸಾವಿರಾರು ಹಾಡುಗಳನ್ನು ಹಾಡಿದರು. ವಿವಿಧ ಮೂಲಗಳ ಪ್ರಕಾರ ಅವರು 40 ಸಾವಿರಕ್ಕೂ ಅಧಿಕ ಗೀತೆಗಳಿಗೆ ಧ್ವನಿಯಾಗಿದ್ದಾರೆ.
ಪ್ರತಿ ಭಾಷೆಯ ಉಚ್ಚಾರಣೆಯನ್ನು ಅತ್ಯಂತ ಶ್ರದ್ಧೆಯಿಂದ ಕಲಿತು, ಆ ಭಾಷೆಯವರೇ ಹಾಡಿದಂತೆ ಹಾಡುವುದು ಅವರ ವಿಶೇಷತೆ. ಅದಕ್ಕಾಗಿಯೇ ಅವರು ಹಾಡಿದ ಗೀತೆಗಳನ್ನು ಯಾವ ರಾಜ್ಯದ ಜನರೂ ತಮ್ಮದೇ ಭಾಷೆಯ ಹಾಡುಗಳೆಂದು ಪ್ರೀತಿಸಿದರು. ಒಬ್ಬ ಗಾಯಕಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ.
ಕನ್ನಡಿಗರ ಮನದ ಜಾನಕಿ
ಕರ್ನಾಟಕದ ಸಂಗೀತಾಸಕ್ತರಿಗೆ ಎಸ್. ಜಾನಕಿ ಎಂದರೆ ವಿಶೇಷವಾದ ಭಾವನಾತ್ಮಕ ಬಂಧ. ಕನ್ನಡ ಚಿತ್ರರಂಗದ ಸುವರ್ಣಯುಗದ ನೂರಾರು ಅಮರಗೀತೆಗಳಿಗೆ ಅವರು ಜೀವ ತುಂಬಿದ್ದಾರೆ.
ಡಾ. ರಾಜ್ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್, ಅನಂತ್ ನಾಗ್, ರಮೇಶ್ ಅರವಿಂದ್ ಸೇರಿದಂತೆ ಹಲವು ತಲೆಮಾರಿನ ನಟ–ನಟಿಯರ ಭಾವನೆಗಳಿಗೆ ಅವರ ಧ್ವನಿಯೇ ಆತ್ಮವಾಗಿತ್ತು.
ವಿಜಯಭಾಸ್ಕರ್, ಜಿ.ಕೆ. ವೆಂಕಟೇಶ್, ರಾಜನ್–ನಾಗೇಂದ್ರ, ಉಪೇಂದ್ರ ಕುಮಾರ್, ಹಂಸಲೇಖ ಸೇರಿದಂತೆ ಕನ್ನಡದ ಶ್ರೇಷ್ಠ ಸಂಗೀತ ನಿರ್ದೇಶಕರೊಂದಿಗೆ ಅವರು ನೀಡಿದ ಹಾಡುಗಳು ಇಂದಿಗೂ ಸಂಗೀತಾಸಕ್ತರ ತುಟಿಗಳಲ್ಲಿ ಜೀವಂತವಾಗಿವೆ.
ಪ್ರೇಮಗೀತೆಗಳಾಗಲಿ, ಭಕ್ತಿಗೀತೆಗಳಾಗಲಿ, ಜಾನಪದ ಸೊಗಡಿನ ಹಾಡುಗಳಾಗಲಿ ಅಥವಾ ವಿರಹದ ಮೌನವನ್ನು ಹೇಳುವ ಮಧುರಗೀತೆಗಳಾಗಲಿ—ಜಾನಕಿ ಅವರ ಧ್ವನಿ ಪ್ರತಿಯೊಂದು ಭಾವಕ್ಕೂ ಹೊಸ ಅರ್ಥ ನೀಡುತ್ತಿತ್ತು.
ಇಳಯರಾಜಾ–ಜಾನಕಿ: ಸಂಗೀತದ ಅದ್ಭುತ ಜೋಡಿ
ತಮಿಳು ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕ ಇಳಯರಾಜಾ ಮತ್ತು ಎಸ್. ಜಾನಕಿ ಅವರ ಸಂಗಮ ಭಾರತೀಯ ಚಿತ್ರಸಂಗೀತದ ಅತ್ಯಂತ ಯಶಸ್ವಿ ಜೋಡಿಗಳಲ್ಲಿ ಒಂದು.
ಇಳಯರಾಜಾ ಅವರ ಸಂಗೀತದ ಸೂಕ್ಷ್ಮ ಭಾವಗಳನ್ನು ಜಾನಕಿ ತಮ್ಮ ಧ್ವನಿಯಲ್ಲಿ ಜೀವಂತಗೊಳಿಸುತ್ತಿದ್ದರು. ಈ ಜೋಡಿಯ ಅನೇಕ ಗೀತೆಗಳು ಇಂದಿಗೂ ದಕ್ಷಿಣ ಭಾರತದ ಸಂಗೀತಾಭಿಮಾನಿಗಳ ನಿತ್ಯ ಸಂಗಾತಿಗಳಾಗಿವೆ.
ಅದೇ ರೀತಿ ಎಂ.ಎಸ್. ವಿಶ್ವನಾಥನ್, ಕೆ.ವಿ. ಮಹಾದೇವನ್, ಚಕ್ರವರ್ತಿ, ಹಂಸಲೇಖ, ರಾಜನ್–ನಾಗೇಂದ್ರ, ವಿಜಯಭಾಸ್ಕರ್ ಮೊದಲಾದ ದಿಗ್ಗಜರ ಸಂಗೀತಕ್ಕೂ ಅವರು ವಿಶಿಷ್ಟ ಕಂಠಸಿರಿ ನೀಡಿದ್ದಾರೆ.
ಧ್ವನಿಯೊಳಗಿದ್ದ ಸಾವಿರ ರೂಪಗಳು
ಎಸ್. ಜಾನಕಿ ಅವರ ಗಾಯನದ ಅತ್ಯಂತ ದೊಡ್ಡ ವೈಶಿಷ್ಟ್ಯವೆಂದರೆ ಧ್ವನಿಯ ರೂಪಾಂತರ. ಒಂದು ಹಾಡಿನಲ್ಲಿ ಮಗು ಮಾತನಾಡಿದಂತೆ ಹಾಡಬಲ್ಲರು; ಮತ್ತೊಂದು ಹಾಡಿನಲ್ಲಿ ವಯಸ್ಸಾದ ಮಹಿಳೆಯ ಭಾವನೆ ಮೂಡಿಸುತ್ತಿದ್ದರು. ಕೆಲವೊಮ್ಮೆ ಗ್ರಾಮೀಣ ಹುಡುಗಿಯ ಮುಗ್ಧತೆ, ಮತ್ತೊಮ್ಮೆ ನಗರ ಮಹಿಳೆಯ ಆತ್ಮವಿಶ್ವಾಸ, ಇನ್ನೊಮ್ಮೆ ತಾಯಿಯ ಮಮತೆ, ಮತ್ತೆ ಭಕ್ತೆಯ ಪ್ರಾರ್ಥನೆ—ಪ್ರತಿ ಭಾವಕ್ಕೂ ಬೇರೆ ಧ್ವನಿಯನ್ನು ನೀಡುವ ಸಾಮರ್ಥ್ಯ ಅವರಿಗೆ ಮಾತ್ರ ಸಾಧ್ಯವಾಗಿತ್ತು. ಅವರ ಧ್ವನಿ ಕೇವಲ ಸಂಗೀತವಲ್ಲ; ಅದು ಅಭಿನಯವೂ ಆಗಿತ್ತು.
ಶ್ರಮ, ಶಿಸ್ತು ಮತ್ತು ಪರಿಪೂರ್ಣತೆಯ ಪ್ರತೀಕ
ಒಂದು ಹಾಡನ್ನು ಹಾಡುವ ಮೊದಲು ಅದರ ಸಾಹಿತ್ಯವನ್ನು ಸಂಪೂರ್ಣ ಅರ್ಥೈಸಿಕೊಳ್ಳುವುದು ಅವರ ಅಭ್ಯಾಸ. ಉಚ್ಚಾರಣೆಯಲ್ಲಿ ಯಾವುದೇ ತಪ್ಪು ಆಗಬಾರದು ಎಂಬ ಕಾರಣಕ್ಕೆ ಹೊಸ ಭಾಷೆಗಳನ್ನು ಸಹ ಕಲಿಯುತ್ತಿದ್ದರು.
ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಸಮಯಪಾಲನೆ, ಶಿಸ್ತು ಹಾಗೂ ಸಂಗೀತದ ಮೇಲಿನ ಅಪಾರ ಗೌರವದಿಂದ ಅವರು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.
ಸಂಗೀತ ನಿರ್ದೇಶಕರು ಅನೇಕ ಬಾರಿ ಹೇಳಿದ್ದೇನಂದರೆ, ಜಾನಕಿ ಹಾಡನ್ನು ಒಮ್ಮೆ ಅರ್ಥ ಮಾಡಿಕೊಂಡರೆ ಅದನ್ನು ಮತ್ತೆ ವಿವರಿಸುವ ಅಗತ್ಯವೇ ಇರಲಿಲ್ಲ.
ಪ್ರಶಸ್ತಿಗಳಿಗಿಂತ ದೊಡ್ಡದು ಜನರ ಪ್ರೀತಿ
ಎಸ್. ಜಾನಕಿ ಅವರು ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ವಿವಿಧ ರಾಜ್ಯ ಸರ್ಕಾರಗಳಿಂದ ಮೂವತ್ತಕ್ಕೂ ಅಧಿಕ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿಗಳು ಅವರಿಗೆ ಸಂದಿವೆ. ಆದರೆ ಅವರು ಎಂದಿಗೂ ಪ್ರಶಸ್ತಿಗಳಿಗಾಗಿ ಹಾಡಲಿಲ್ಲ. ಸಂಗೀತವೇ ಅವರ ಧ್ಯಾನ, ಗಾಯನವೇ ಅವರ ಪೂಜೆ.
ಪದ್ಮಭೂಷಣ ಪ್ರಶಸ್ತಿಯನ್ನು ಅವರು ವಿನಯಪೂರ್ವಕವಾಗಿ ನಿರಾಕರಿಸಿದ್ದು ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು. ತಮ್ಮ ಸಾಧನೆಗೆ ತಡವಾಗಿ ಗೌರವ ನೀಡಲಾಗಿದೆ ಎಂಬ ಭಾವನೆಯನ್ನು ಅವರು ಅತ್ಯಂತ ಗೌರವಯುತವಾಗಿ ವ್ಯಕ್ತಪಡಿಸಿದ್ದರು.
ಎಸ್.ಪಿ.ಬಿ.–ಜಾನಕಿ: ಮರೆಯಲಾಗದ ಸಂಗೀತಯಾನ
ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಎಸ್. ಜಾನಕಿ ಅವರ ಜೋಡಿ ಭಾರತೀಯ ಚಿತ್ರಸಂಗೀತದ ಅತ್ಯಂತ ಜನಪ್ರಿಯ ಗಾಯನ ಜೋಡಿಗಳಲ್ಲಿ ಒಂದು.
ಅವರಿಬ್ಬರು ಹಾಡಿದ ಸಾವಿರಾರು ಯುಗಲಗೀತೆಗಳು ಇಂದಿಗೂ ರೇಡಿಯೋಗಳಲ್ಲಿ, ಸಂಗೀತ ಕಾರ್ಯಕ್ರಮಗಳಲ್ಲಿ ಮತ್ತು ಅಭಿಮಾನಿಗಳ ನೆನಪುಗಳಲ್ಲಿ ಸದಾ ಕೇಳಿಸುತ್ತಿವೆ.ಇವರ ಗಾಯನದಲ್ಲಿ ಸ್ಪರ್ಧೆಯಿರಲಿಲ್ಲ; ಪರಸ್ಪರ ಪೂರಕವಾದ ಸಂಗೀತ ಮಾತ್ರ ಇತ್ತು.
ಸರಳತೆಯೇ ಅವರ ಅಲಂಕಾರ
ಅಸಂಖ್ಯಾತ ಪ್ರಶಸ್ತಿಗಳು, ಲಕ್ಷಾಂತರ ಅಭಿಮಾನಿಗಳು, ದೇಶವ್ಯಾಪಿ ಖ್ಯಾತಿ—ಇವೆಲ್ಲ ಇದ್ದರೂ ಎಸ್. ಜಾನಕಿ ಅತ್ಯಂತ ಸರಳ ಜೀವನ ನಡೆಸಿದರು.ವೇದಿಕೆಯಲ್ಲಿ ಎಂದಿಗೂ ಆಡಂಬರ ತೋರಲಿಲ್ಲ. ಸಂದರ್ಶನಗಳಲ್ಲಿಯೂ ತಮ್ಮ ಸಾಧನೆಗಿಂತ ಸಂಗೀತದ ಮಹತ್ವದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರು.ಹೊಸ ಗಾಯಕರಿಗೆ ಪ್ರೋತ್ಸಾಹ ನೀಡುವುದು, ಅವರನ್ನು ಮೆಚ್ಚುವುದು ಮತ್ತು ಸಂಗೀತವನ್ನು ಗೌರವಿಸುವಂತೆ ಸಲಹೆ ನೀಡುವುದು ಅವರ ಸ್ವಭಾವವಾಗಿತ್ತು.
ಹೊಸ ತಲೆಮಾರಿನಲ್ಲೂ ಜೀವಂತ ಧ್ವನಿ
ಡಿಜಿಟಲ್ ಸಂಗೀತದ ಯುಗದಲ್ಲಿಯೂ ಎಸ್. ಜಾನಕಿ ಅವರ ಹಾಡುಗಳ ಜನಪ್ರಿಯತೆ ಕಡಿಮೆಯಾಗಲಿಲ್ಲ. ಯೂಟ್ಯೂಬ್, ಸಂಗೀತ ಆ್ಯಪ್ಗಳು, ರಿಯಾಲಿಟಿ ಶೋಗಳು, ಸಾಮಾಜಿಕ ಜಾಲತಾಣಗಳು—ಎಲ್ಲೆಡೆ ಅವರ ಹಾಡುಗಳು ಹೊಸ ತಲೆಮಾರಿನ ಕಿವಿಗಳಿಗೆ ತಲುಪುತ್ತಲೇ ಇವೆ. ಇಂದಿನ ಅನೇಕ ಯುವ ಗಾಯಕ–ಗಾಯಕಿಯರು ತಮ್ಮ ಸಂಗೀತಯಾನದ ಪ್ರೇರಣೆಯಾಗಿ ಜಾನಕಿ ಅವರನ್ನು ಉಲ್ಲೇಖಿಸುತ್ತಾರೆ.
ಸಂಗೀತ ಲೋಕದ ಕಂಬನಿ
ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ದೇಶದಾದ್ಯಂತ ಸಂಗೀತ ಲೋಕದಲ್ಲಿ ಶೋಕದ ಛಾಯೆ ಆವರಿಸಿತು. ಚಿತ್ರರಂಗದ ಗಣ್ಯರು, ಸಂಗೀತ ನಿರ್ದೇಶಕರು, ಗಾಯಕ–ಗಾಯಕಿಯರು, ಸಾಹಿತ್ಯಿಕರು, ರಾಜಕೀಯ ನಾಯಕರು ಹಾಗೂ ಲಕ್ಷಾಂತರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಭಾವಪೂರ್ಣ ನಮನ ಸಲ್ಲಿಸಿದರು.
“ಒಂದು ಯುಗ ಮುಗಿಯಿತು”, “ಗಾನಕೋಗಿಲೆಯ ಧ್ವನಿ ಎಂದೆಂದಿಗೂ ಜೀವಂತ”, “ನಮ್ಮ ಜೀವನದ ನೆನಪುಗಳಿಗೆ ಹಿನ್ನೆಲೆ ಸಂಗೀತ ನೀಡಿದ ಧ್ವನಿ” ಎಂಬ ಮಾತುಗಳು ಎಲ್ಲೆಡೆ ಕೇಳಿಬಂದವು.
ಕನ್ನಡಿಗರ ನೆನಪಿನಲ್ಲಿ ಎಂದೆಂದಿಗೂ
ಕರ್ನಾಟಕದ ಮನೆಮನೆಗಳಲ್ಲೂ ಎಸ್. ಜಾನಕಿ ಅವರ ಹಾಡುಗಳು ಇಂದಿಗೂ ಬೆಳಗಿನ ಭಕ್ತಿಗೀತೆಗಳಾಗಿ, ಪ್ರೇಮಗೀತೆಗಳಾಗಿ, ಹಬ್ಬದ ಸಂಭ್ರಮವಾಗಿ, ಬದುಕಿನ ನೆನಪುಗಳಾಗಿ ಮೊಳಗುತ್ತಿವೆ.
ಅವರ ಧ್ವನಿ ಅನೇಕ ಕುಟುಂಬಗಳ ಭಾವನೆಗಳ ಒಂದು ಭಾಗವಾಗಿದೆ. ತಾಯಿಯ ನೆನಪಿನಲ್ಲಿ, ಪ್ರೀತಿಯ ನೆನಪಿನಲ್ಲಿ, ಬಾಲ್ಯದ ನೆನಪಿನಲ್ಲಿ, ಹಬ್ಬದ ಸಂಭ್ರಮದಲ್ಲಿ—ಎಲ್ಲೆಲ್ಲೂ ಜಾನಕಿ ಅವರ ಹಾಡುಗಳಿವೆ.
ಸ್ವರ ಮೌನವಾದರೂ…
ಕಾಲ ಬದಲಾಗಬಹುದು. ಸಂಗೀತದ ಶೈಲಿಗಳು ಬದಲಾಗಬಹುದು. ಹೊಸ ತಂತ್ರಜ್ಞಾನಗಳು ಬರಬಹುದು. ಆದರೆ ಭಾವನೆಗೆ ಜೀವ ತುಂಬುವ ಧ್ವನಿಗಳು ಅಪರೂಪ.
ಎಸ್. ಜಾನಕಿ ಅಂತಹ ಅಪರೂಪದ ಧ್ವನಿ. ಅವರ ದೇಹ ನಮ್ಮೊಂದಿಗಿಲ್ಲ. ಆದರೆ ಅವರು ಹಾಡಿದ ಪ್ರತಿಯೊಂದು ಗೀತೆ ಮುಂದಿನ ಹಲವು ತಲೆಮಾರುಗಳಿಗೂ ಬದುಕಿನ ಸಂಗಾತಿಯಾಗಿರುತ್ತದೆ. ಸಂಗೀತ ಇತಿಹಾಸವನ್ನು ಬರೆಯುವಾಗ ಅವರ ಹೆಸರನ್ನು ಬಿಟ್ಟು ಮುಂದೆ ಸಾಗುವುದು ಅಸಾಧ್ಯ. ಮರಣವು ಒಬ್ಬ ವ್ಯಕ್ತಿಯನ್ನು ಮಾತ್ರ ಕಸಿದುಕೊಳ್ಳಬಹುದು; ಅವರು ಸೃಷ್ಟಿಸಿದ ಕಲೆಯನ್ನು ಅಲ್ಲ.
ಎಸ್. ಜಾನಕಿ ಅವರ ಸ್ವರ ಇಂದು ಮೌನವಾಗಿದೆ. ಆದರೆ ಅವರು ಹಾಡಿದ ಸಾವಿರಾರು ಗೀತೆಗಳು ಭಾರತೀಯ ಸಂಗೀತಾಕಾಶದಲ್ಲಿ ಶಾಶ್ವತವಾಗಿ ಪ್ರತಿಧ್ವನಿಸುತ್ತಲೇ ಇರುತ್ತವೆ.
ಅವರ ಕಂಠಸಿರಿ ಕಾಲವನ್ನು ಮೀರಿದೆ.
ಅವರ ಸಂಗೀತ ತಲೆಮಾರುಗಳನ್ನು ಮೀರಿದೆ.
ಅವರ ನೆನಪು ಎಂದಿಗೂ ಅಳಿಯದು.
ಸ್ವರ ಮೌನವಾಗಿದೆ… ಆದರೆ ಸಂಗೀತ ಅಮರವಾಗಿದೆ. ಅದೇ ಎಸ್. ಜಾನಕಿ ಅವರ ಶಾಶ್ವತ ಪರಂಪರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಕವಿತೆ | ದೇವರ ಹೂವು
~ ಡಾ. ಸಿ.ಬಿ.ಐನಳ್ಳಿ
ಊಟ ಮಾಟ ವೇಷ ಭಾಷೆ
ಪ್ರಾರ್ಥನೆ ಬೇರೆ ಬೇರೆ
ಪವಿತ್ರಪಠ್ಯ ಅವನದೊಂದು
ನನ್ನದಿನ್ನೊಂದಂತೆ
ನದಿ ದಂಡೆಯ ಮೇಲೆ
ನೋಟ ಬೆರೆತು ಮಾತು ಮರೆತು
ಮೈತ್ರಿ ಮೊಳೆಯಿತು
ಎಷ್ಟು ಬಿಗಿದಪ್ಪಿಕೊಂಡರೂ
ಉಳಿಯುತ್ತಿತ್ತು ನಡುವೆ ಸಣ್ಣ ಪೊಳ್ದಾಣ
ಹೂದೋಟದ ದುಂಬಿ ಸತತ ಮೂರು
ವಸಂತದ ಗಾಳಿ ಅಣಕಿಸಿದಾಗ
ಪರಾಗಸ್ಪರ್ಶಕೆ ಹೊಸ ಹೂವೊಂದು
ಅರಳಿ ನಿಂತಿತು
ಪೊಳ್ಳಿನ ನೆನಪೇ ಮಾಯವಾಗಿದೆ
ಎಳೆ ಹೂವು ಮೈಮರೆತು
ಹಾಡಿ ಓಡಿ ನಲಿಯುತಿದೆ
ಧರ್ಮ ನನ್ನ ಕಣ್ಣೊಳಗೆ ಜಿನುಗಿ
ಹನಿಯಾಗಿ ಜಾರುತಿದೆ
ಕವಿ ಪರಿಚಯ : ಡಾ. ಸಿ.ಬಿ.ಐನಳ್ಳಿ, ಸಹಾಯಕ ಪ್ರಾಧ್ಯಾಪಕರು, ಇಂಗ್ಲೀಷ್ ವಿಭಾಗ, ಕರ್ನಾಟಕ ಕಲಾ ಮಹಾವಿದ್ಯಾಲಯ, ಧಾರವಾಡ
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoಮಾಠಾಧೀಶರ ಮೇಲೆ ಹಲ್ಲೆ ; ನಿರ್ಲಕ್ಷಿಸಿದರೆ ದುಷ್ಕೃತ್ಯ ಹೆಚ್ಚಳ ಸಂಭವ; ಕಠಿಣ ಕ್ರಮಕ್ಕೆ ಎಚ್.ಆಂಜನೇಯ ಆಗ್ರಹ
-
ಅಂಕಣ6 days agoಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ
-
ದಿನದ ಸುದ್ದಿ5 days agoಮಾಜಿ ರಾಜ್ಯಸಭಾ ಸದಸ್ಯ ಹೆಚ್ ಹನುಮಂತಪ್ಪ ನಿಧನ
-
ದಿನದ ಸುದ್ದಿ3 days agoಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕ ರಾಜೇಶ್ಗೌಡ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ3 days agoಎಸ್.ಐ.ಆರ್ ಮತದಾರರ ಪಟ್ಟಿಯ ಡಿಜಿಟಲೀಕರಣ ಶೇ. 56 ರಷ್ಟು ಪೂರ್ಣ
-
ದಿನದ ಸುದ್ದಿ21 hours agoಸ್ಟಾರ್ ಹೆಲ್ತ್ ಉಚಿತ ವೈದ್ಯಕೀಯ ಸಲಹೆ


