ಅಂತರಂಗ
ಅರಿಮೆಯ ಅರಿವಿರಲಿ-34 : ಕೌಟುಂಬಿಕ ವ್ಯವಹಾರ
- ಯೋಗೇಶ್ ಮಾಸ್ಟರ್
ಒಬ್ಬ ವ್ಯಕ್ತಿ ಆ ಒಂದು ಘಟನೆಯ ಮುಂಚೆ ಆರೋಗ್ಯಕರವಾಗಿದ್ದ. ಆದರೆ ಆ ಘಟನೆಯ ನಂತರ ಪೂರ್ತಿ ಅಸ್ವಸ್ಥ. ಅದು ಕೆಲವು ಘಟನೆಗಳು ಮಾಡುವ ಆಘಾತ. ಈ posttraumatic embitterment disorder (PTED) ವಕ್ಕರಿಸಿದ ನಂತರ ಎಷ್ಟು ಕಾಲ ಇರುವುದೋ, ಏನೇನೆಲ್ಲಾ ಪ್ರಭಾವಗಳನ್ನು ಬೀರುವುದೋ ಹೇಳಲಾಗದು. ಗಂಡ ಹೆಂಡಿರ ನಡುವಿನ ಜಗಳ ಹೆಚ್ಚಾಗಿ ಇಬ್ಬರಿಗೂ ಸಹಿಸಲು ಸಾಧ್ಯವಾಗುವುದಿಲ್ಲ ಎಂದಾದಾಗ ನ್ಯಾಯಾಲಯದ ಮೊರೆ ಹೋಗಿ ವಿಚ್ಛೇದನೆ ಪಡೆದುಕೊಳ್ಳುತ್ತಾರೆ.
ಆದರೆ ಈ ವಿಚ್ಛೇದನೆಯ ನಂತರ ಭೌತಿಕವಾಗಿ, ಲೌಕಿಕವಾಗಿ ಇಬ್ಬರಿಗೂ ಅಂತರವೇನೋ ಉಂಟಾಗುತ್ತದೆ. ಆದರೆ, ಇಬ್ಬರಲ್ಲೂ ಮಾನಸಿಕವಾದಂತಹ ಒಂದು ಛಾಯೆ ಆವರಿಸಿಯೇ ಇರುತ್ತದೆ. ಆದ್ದರಿಂದಲೇ ವಿಚ್ಛೇದನೆಯ ನಂತರ ಇಬ್ಬರಿಗೂ ಆಪ್ತ ಸಮಾಲೋಚನೆಯ ಅಗತ್ಯವಿರುತ್ತದೆ. ಅದರಲ್ಲೂ ಮಕ್ಕಳೇನಾದರೂ ಇದ್ದಲ್ಲಿ ಈ ಬಗೆಯ ಸಮಾಲೋಚನೆಯ ಅಗತ್ಯ ಹೆಚ್ಚಿರುತ್ತದೆ.
ಒಂದೇ ಬಳ್ಳಿಯ ಹೂಗಳು
ಗಂಡ ಹೆಂಡರ ಸಂಬಂಧವೇನೋ ಕಾನೂನಾತ್ಮಕವಾಗಿ ಕತ್ತರಿಸಿಕೊಳ್ಳಲಾಗುವುದು. ಆದರೆ ಅದಕ್ಕಿಂತಲೂ ಕೆಟ್ಟದಾದ ಸಂಘರ್ಷಗಳು ವಿಚ್ಛೇದನದ ವ್ಯಾಪ್ತಿಗೇ ಬರದಂತಹ ಕೌಟುಂಬಿಕ ಸಂಬಂಧಗಳಲ್ಲಿರುತ್ತವೆ. ಅವುಗಳನ್ನು ಹೇಗೆ ಕತ್ತರಿಸಿಕೊಳ್ಳಲಾಗುತ್ತದೆ. ಒಂದೇ ಕಳ್ಳುಬಳ್ಳಿ, ಒಂದೇ ರಕ್ತ, ಹೆತ್ತ ತಾಯಿ ತಂದೆ, ಒಡಹುಟ್ಟಿದವರು; ಹೀಗೆ ಭಾವುಕ ಕಟ್ಟುಗಳು ಬಿಗಿದಿರುತ್ತವೆ. ಈ ಭಾವುಕತೆಯು ಮತ್ತದೇ ಸಮಾಜ ಸೃಷ್ಟಿಸಿರುವುದು. ಮಗ ತಾಯಿಯ ಜೊತೆ ಜಗಳ ಮಾಡಿದರೆ ಸಮಾಜವೇ ಹೇಳುತ್ತದೆ. ಅವಳು ಹೆತ್ತ ತಾಯಿ ನೀನು ಹೀಗೆ ವರ್ತಿಸಬಾರದು ಎಂದು.
ಹೀಗಾಗಿ ಎಷ್ಟೆಷ್ಟೋ ಮನೆಗಳಲ್ಲಿ ಕುಟುಂಬದ ಸದಸ್ಯರು ತಮ್ಮ ತಮ್ಮ ನಡುವೆ ಗೋಡೆಗಳನ್ನು ಕಟ್ಟಿಕೊಂಡು ವಾಸಿಸುತ್ತಿರುತ್ತಾರೆ. ಹೊರಗಿನ ನೋಟಕ್ಕೆ ಅವರು ಒಂದೇ ಮನೆಯ ಒಂದು ಕುಟುಂಬದ ಸದಸ್ಯರು. ಆದರೆ ಅವರ ನಡುವೆ ದೊಡ್ಡ ದೊಡ್ಡ ಕಂದಕಗಳು ಇದ್ದು, ಅವರು ಅವುಗಳನ್ನು ಎಂದಿಗೂ ದಾಟದಂತಹ ಸ್ಥಿತಿಯಲ್ಲಿ ಇರುತ್ತಾರೆ. ಪ್ರತಿದಿನವೂ ಒಬ್ಬರಿಗೊಬ್ಬರು ಅನುಮಾನಿಸುತ್ತಿರುತ್ತಾರೆ, ಅಪಮಾನಿಸುತ್ತಿರುತ್ತಾರೆ, ತಿಕ್ಕಾಟಗಳು ನಡೆಯುತ್ತಲೇ ಇರುತ್ತವೆ. ಯಾರಾದರೂ ಸತ್ತಾಗ ಎಲ್ಲರೂ ಒಟ್ಟಿಗೇ ಹೋಗುತ್ತಾರೆ. ಮದುವೆಯೇ ಮೊದಲಾದ ಸಮಾರಂಭಗಳಿಗೆ ಒಟ್ಟಿಗಿರುತ್ತಾರೆ.ಅವರ ನಡುವೆ ನಡೆಯುವ ಎಲ್ಲಾ ವಿದ್ಯಮಾನಗಳೂ ಕೌಟುಂಬಿಕ ವ್ಯವಹಾರ.ವ್ಯಾವಹಾರಿಕವಾಗಿರುವ ಕೌಟುಂಬಿಕ ಸಂಬಂಧಗಳು ಪರಸ್ಪರ ಸೇಡಿನ ಮನೋಭಾವವನ್ನು ಗಾಢಗೊಳಿಸುತ್ತಿರುತ್ತದೆ.
ಕಾರಣ ಬೇಡದ ಆಪ್ತತೆಗಳು
ವಾಸ್ತವವಾಗಿ ಸಂಬಂಧಗಳು ಭಾವನಾತ್ಮಕವಾಗಿರಲು ಆ ಸಂಬಂಧಕ್ಕೆ ಹೆಸರೇ ಬೇಕಾಗಿರುವುದಿಲ್ಲ. ಆತ್ಮೀಯತೆ ಮತ್ತು ಆಪ್ತತೆಯು ವ್ಯಕ್ತಿಗಳ ನಡುವೆ ಅಕಾರಣವಾಗಿಯೋ, ಕಾರಣವಿದ್ದೋ ಬೆಳೆಯುವುದು. ಆ ಬಗೆಯ ಸಂಬಂಧಗಳು ಮುದ ಕೊಡುತ್ತಿರುತ್ತವೆ ಮತ್ತು ಸಾಂತ್ವಾನ ನೀಡುತ್ತಿರುತ್ತವೆ.
ಬಹುಕಾಲದಿಂದ ನೋಡಿರುವ ಮನೆಯೊಳಗಿನ ವ್ಯಕ್ತಿಯು ಹೀಗೆ ಎಂಬ ಹಣೆಪಟ್ಟಿ ಕಟ್ಟಿ ಅವನ ಬೇರೆ ಯಾವ ಬದಲಾವಣೆಯನ್ನೂ ನೋಡಲು ಮತ್ತೊಂದು ವ್ಯಕ್ತಿಗೆ ಇಚ್ಛೆಯೇ ಇರುವುದಿಲ್ಲ.
ಹಾಗಾಗಿ, ವ್ಯಕ್ತಿಯಲ್ಲಿನ ಆಲೋಚನೆಗಳಲ್ಲಿ, ವಿಚಾರಗಳಲ್ಲಿ, ಧೋರಣೆಗಳಲ್ಲಿ ಬದಲಾವಣೆಯು ಶುರುವಾಗಿದ್ದರೂ ಆ ವ್ಯಕ್ತಿಯ ಬಗ್ಗೆ ತಾನು ಹಾಕಿಕೊಂಡಿರುವ ಕನ್ನಡಕದ ಮೂಲಕವೇ ನೋಡುವುದರಿಂದ ಆ ಬದಲಾವಣೆಗಳನ್ನು ಗುರುತಿಸಲಾಗುವುದಿಲ್ಲ. ತಿರಸ್ಕಾರದ ಭಾವ ಎಷ್ಟು ಗಾಢವಾಗಿರಬಹುದೆಂದರೆ ಅಂತಹ ಬದಲಾವಣೆಗಳನ್ನು ಬಯಸುವುದೂ ಇಲ್ಲ. ಕೆಲವರು ತಮ್ಮ ಮನೆಯ ಸದಸ್ಯರ ನಡುವೆ ಜಗಳವಾಗಿ ಸಮಾಲೋಚನೆಗೆಂದು ಬಂದಾಗ, “ನೀವು ಹೀಗೆ ವರ್ತಿಸಿ, ಹೀಗೆ ಪ್ರತಿಕ್ರಿಯೆಗಳನ್ನು ನೀಡಿ. ಅವರು ಬದಲಾಗಬಹುದು. ಸರಿ ಹೋಗುವ ಸಾಧ್ಯತೆಗಳಿವೆ.
ಅವರಿಗೆ ಇಂತಹ ಸಮಸ್ಯೆ ಇದೆ. ಆ ಸಮಸ್ಯೆ ನಿವಾರಣೆಯಾಗಬೇಕೆಂದರೆ ನೀವು ಹೀಗೆ ಮಾಡಬೇಕೆಂದು” ಸಲಹೆ ನೀಡಿದರೆ, “ಇಲ್ಲ ಸಾರ್, ಅವರು ಸರಿ ಹೋಗುವುದಿಲ್ಲ. ನಾನಿಷ್ಟು ವರ್ಷಗಳಿಂದ ನೋಡಿದ್ದೇನಲ್ಲವಾ? ಅವರು ಎಂದಿಗೂ ಸರಿ ಹೋಗುವುದಿಲ್ಲ” ಎಂದು ನಕಾರಾತ್ಮಕವಾಗಿಯೇ ಪ್ರತಿಕ್ರಿಯಿಸುತ್ತಾರೆ. ನಿಜ ಹೇಳಬೇಕೆಂದರೆ ಇವರಿಗೂ ಅವರು ಸರಿ ಹೋಗುವುದು ಬೇಡ. ಇವರು ಅವರ ಬಗ್ಗೆ ಈ ಹಿಂದೆ ದೂರಿರುವುದು, ಈಗ ದೂರುತ್ತಿರುವುದು; ಯಾವುದೂ ಸುಳ್ಳಾಗಬಾರದು. ಅಷ್ಟೇ ಅಲ್ಲ. ಇವರು ಅವರಿಗೆ ‘ಹೀಗೆ’ ಎಂದು ಕಟ್ಟಿರುವ ಹಣೆಪಟ್ಟಿಯು ವಿಫಲವಾಗಬಾರದು. ಈ ಬಗೆಯ ಸಮಸ್ಯೆಗಳು ಕೂಡಾ ತನ್ನೊಡನೆ ಬಾಳುತ್ತಿರುವ ವ್ಯಕ್ತಿಯ ಬದಲಾವಣೆಯನ್ನು ನೋಡಲು ಸಮ್ಮತಿಸುವುದಿಲ್ಲ.
ಅಕ್ಕ ತಂಗಿಯ ನಡುವಿನ ಸಂಘರ್ಷದಲ್ಲಿ ಅಕ್ಕ ತನ್ನ ತಂಗಿಯನ್ನು ಖಳನಾಯಕಿಯನ್ನಾಗಿ ಚಿತ್ರಿಸಿರುವಾಗ ಅವಳು ಒಮ್ಮಿಂದೊಮ್ಮೆಲೇ ಯಾವುದೇ ಕಾರಣಕ್ಕೆ ಒಳ್ಳೆಯವಳಾಗಿ ನಾಯಕಿಯಾಗಲು ಅಕ್ಕಗೆ ಇಷ್ಟವಿರುವುದಿಲ್ಲ. ಅವಳು ಒಳ್ಳೆಯವಳಾಗಿಬಿಟ್ಟರೆ, ತಾನು ದೂರಿರುವವರ ಮುಂದೆ ಸುಳ್ಳಿಯಾಗಿಬಿಡುತ್ತೇನೆ ಎಂಬ ಆತಂಕ. ಇದು ಸೇಡಿನ ಮನೋಭಾವವೇ. ಹೀಗೆ ಜೀವನ ಪೂರ್ತಿ ತಮ್ಮ ಮನಸ್ಸಿನ ಸ್ವಾಸ್ಥ್ಯವನ್ನು ಪದೇಪದೇ ಹಾಳುಗೆಡವಿಕೊಳ್ಳುತ್ತಲೇ ಇರುತ್ತಾರೆ.
ಸೇಡಿನ ರೋಗದ ಲಕ್ಷಣಗಳು
ಸೇಡಿನ ರೋಗದ ಲಕ್ಷಣಗಳೇನೆಂದರೆ, ತಮ್ಮ ಖಿನ್ನತೆ, ಬಳಲಿಕೆ, ಅಹಿತಕರವಾದ ಸ್ಥಿತಿಗೆ ಯಾರು ಕಾರಣ ಮತ್ತು ಯಾವುದು ಕಾರಣ ಎಂದು ತಿಳಿದಿರುತ್ತಾರೆ. ತನಗೆ ಆಗಿರುವುದು ಅನ್ಯಾಯ, ದ್ರೋಹ ಎಂದು ಸ್ಪಷ್ಟವಾಗಿ ತಿಳಿದಿರುತ್ತಾರೆ. ಆ ಸಂಗತಿ ಅಥವಾ ವ್ಯಕ್ತಿಯ ಕಾರಣದಿಂದ ತಾನು ಈ ಅಸಹಾಯಕ ಸ್ಥಿತಿಯಲ್ಲಿದ್ದೇನೆ, ಕೋಪಗೊಂಡಿದ್ದೇನೆ, ಆಘಾತಗೊಂಡಿದ್ದೇನೆ ಎಂದು ಪದೇ ಪದೇ ನೆನೆಸಿಕೊಳ್ಳುತ್ತಿರುತ್ತಾರೆ.
ಸಾಧ್ಯವಾದ ಕಡೆಗಳಲ್ಲೆಲ್ಲಾ ಹೇಳುತ್ತಿರುತ್ತಾರೆ ಮತ್ತು ಹಾಗೆ ಹೇಳುವಾಗ ಪದೇ ಪದೇ ನೆನಪಿಸಿಕೊಳ್ಳುವುದರಿಂದ ಅವರು ಅವರ ಬಗ್ಗೆ ಹೊಂದಿರುವ ನಕಾರಾತ್ಮಕವಾದ ಆಲೋಚನೆಯು ಬಲಗೊಳ್ಳುತ್ತಿರುತ್ತದೆ. ಹಾಗೂ ಅದರ ಕುರಿತಾದ ಭಾವನಾತ್ಮಕವಾದ ನೋವು ಆಳವಾಗುತ್ತಾ ಹೋಗುತ್ತದೆ. ಮಾನಸಿಕವಾಗಿ ಆ ನೋವನ್ನು ಜೀವಂತವಾಗಿಡುವ ಕಾರಣದಿಂದ ಭಾವನಾತ್ಮಕವಾಗಿ ಆ ನೋವು ನಿಜವಾಗಿ ಇಲ್ಲದಿದ್ದರೂ, ಕೃತಕವಾಗಿಯಾದರೂ ಶೋಕ, ಖಿನ್ನತೆ ಮತ್ತು ಆಘಾತವನ್ನು ಪ್ರದರ್ಶಿಸುವ ಅನಿವಾರ್ಯತೆ ಅವರಿಗಿರುತ್ತದೆ.
ಇನ್ನೂ ಕೆಲವರಿಗೆ ಅದೊಂದು ರೀತಿಯಲ್ಲಿ ಅಡಗಿಕೊಂಡಿರುವ ನಾಗರದಂತೆ ಇದ್ದು, ನೆನಪಿನ ಬುಟ್ಟಿ ತೆರೆದಾಗೆಲ್ಲಾ ಹೆಡೆ ಎತ್ತಿ ರೋಷದಿಂದ ಬುಸುಗುಡುತ್ತದೆ ಮತ್ತು ಕಚ್ಚಲು ಪ್ರಯತ್ನಿಸುತ್ತಲೇ ಇರುತ್ತದೆ. ಆ ಒಂದು ದಿನ ಅನುಭವಿಸಿದ ನೋವು, ನಿರಾಸೆ, ಕೋಪ ಮತ್ತು ಅಸಹಾಯಕತೆಗಳನ್ನೆಲ್ಲಾ ಮತ್ತೆ ಮತ್ತೆ ನೆನಪಿನೊಂದಿಗೆ ಮರುಕಳಿಸುವಂತೆ ಮಾಡಿಕೊಳ್ಳುತ್ತಾರೆ. ತಾವು ಸಂಘರ್ಷವನ್ನು ಹೊಂದಿರುವ ವ್ಯಕ್ತಿಯ ಜೊತೆ ಮತ್ತೆ ಸಂಬಂಧವನ್ನು ಸರಿಮಾಡಿಕೊಳ್ಳಲು ಇವರಿಗೇ ಸಲಹೆ ಮತ್ತು ನಿರ್ದೇಶನಗಳನ್ನು ಕೊಡಲು ಪ್ರಾರಂಭಿಸಿದರೆ, ಇವರ ಸಂಬಂಧವನ್ನೇ ಕಡೆದುಕೊಳ್ಳಬಹುದು.
ಏಕೆಂದರೆ ಈಗ ಅವರಿಗೆ ಬೇಕಾಗಿರುವುದು ಸಂಬಂಧದಲ್ಲಿ ಸುಧಾರಣೆಯಲ್ಲ. ತಮ್ಮ ನೋವಿಗೆ ಪ್ರತಿಕಾರವನ್ನು ತೀರಿಸಿಕೊಳ್ಳಬೇಕು. ಸೇಡು! ಅದು ಎಷ್ಟರಮಟ್ಟಿಗೆ ಮುಟ್ಟಬಹುದು ಎಂದರೆ, ಕೊಲೆ ಅಥವಾ ಆತ್ಮಹತ್ಯೆಯವರೆಗೂ ಹೋಗಬಹುದು.
ಇದಕ್ಕೆ ಪರಿಹಾರವೆಂದರೆ, ಪ್ರತಿಯೊಂದನ್ನು ತನ್ನ ಆಲೋಚನೆಯಂತೆಯೇ ನೋಡುವುದನ್ನು ನಿಲ್ಲಿಸುವುದು. ಅಂದರೆ ಯಾವುದೇ ಒಂದು ವಸ್ತುವನ್ನು, ಸಂಗತಿಯನ್ನು ಅಥವಾ ವ್ಯಕ್ತಿಯನ್ನು ತಮ್ಮಲ್ಲಿ ಈಗಾಗಲೇ ಇರುವಂತಹ ಆಲೋಚನೆಗಳ ಚೌಕಟ್ಟಿನಲ್ಲಿ ಅಳವಡಿಸದಂತಹ ಎಚ್ಚರಿಕೆಯನ್ನು ಹೊಂದುವುದು.
ಯಾವುದೇ ವ್ಯಕ್ತಿಯನ್ನು ನೋಡಿದ ಕೂಡಲೇ “ಇವರು ಹೀಗೆ” ಎಂದು ಭಾವ ಮೂಡುತ್ತಿದ್ದಂತೆ ಎಚ್ಚರಿಕೆಯನ್ನು ಹೊಂದುವುದು. ಯಾರಿಗೂ ಹಣೆಪಟ್ಟಿಯನ್ನು ಕಟ್ಟದೇ, ತಾನೂ ಕಟ್ಟಿಕೊಳ್ಳದಂತೆ ಇರುವ ಅಭ್ಯಾಸವನ್ನು ಉದ್ದೇಶಪೂರ್ವಕವಾಗಿ ಮತ್ತು ಪ್ರಜ್ಞಾಪೂರ್ವಕವಾಗಿ ಮಾಡುವುದು. ಯಾವುದೋ ಕಾಗದವನ್ನು ಬರೆಯುತ್ತೀರಿ. ಅದು ಸರಿಹೋಗಲಿಲ್ಲವೆಂದರೆ ಬೇಸರದಿಂದ ಹರಿದು ಚೂರು ಚೂರು ಮಾಡದೇ ಅದನ್ನು ಹಾಗೆಯೇ ಪಕ್ಕಕ್ಕಿರಿಸುವುದು ರೂಢಿ ಮಾಡಿಕೊಳ್ಳಬೇಕು. ಯಾವುದಾದರೂ ವಸ್ತುಗಳಿಂದ ಕೆಲಸ ಮಾಡುತ್ತಿದ್ದಾಗ ಅವು ಸರಿಹೋಗದಿದ್ದರೆ ಅದನ್ನು ನಾಶ ಮಾಡುವ ರೂಢಿ ಇದ್ದರೆ ಅದನ್ನು ಮೊದಲು ತಪ್ಪಿಸಬೇಕು.
ಎಲ್ಲದರಲ್ಲೂ ನನಗೇನು ಲಾಭ ಎನ್ನುವಂತಹ ಆಲೋಚನೆಯೇ ಒಂದು ಮಾನಸಿಕ ಸಮಸ್ಯೆ. ಯಾರಿಂದ, ಯಾವುದರಿಂದ ನನಗೇನಾಗಬೇಕಿದೆ ಎಂಬ ಜಿಗುಪ್ಸೆಯೂ ಕೂಡಾ ಅದೇ ಮಾನಸಿಕ ಸಮಸ್ಯೆಯ ಮತ್ತೊಂದು ಮುಖ. ಕನ್ನಡಕವಿಲ್ಲದೇ, ಲಾಭ ನಷ್ಟಗಳ ಆಲೋಚನೆ ಇಲ್ಲದೆ ಸಂಗತಿಗಳನ್ನು ಮತ್ತು ವ್ಯಕ್ತಿಗಳನ್ನು ನೋಡುವ ಜಾಣರು ತಮ್ಮ ಮನದಲ್ಲಿ ಗಾಯ ಮಾಡಿಕೊಳ್ಳಲಾರರು ಮತ್ತು ಅದನ್ನು ಪದೇ ಪದೇ ಕೆರೆದುಕೊಂಡು ಹುಣ್ಣು ಮಾಡಿಕೊಳ್ಳಲಾರರು.
ತರಚು ಗಾಯವ ಕೆರೆದು ಹುಣ್ಣನಾಗಿಪುದು ಕಪಿ
ಕೊರತೆಯೊಂದನು ನೀನು ನೆನೆನೆನೆದು ಕೆರಳಿ
ಧರೆಯಲ್ಲವನು ಶಪಿಸಿ ಮನದಿ ನರಕವ ನಿಲಿಸಿ
ನರಳುವುದು ಬದುಕೇನೋ ಮಂಕುತಿಮ್ಮ.
(ಮುಂದುವರಿಯುವುದು)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು
~ ಯೋಗೇಶ್ ಮಾಸ್ಟರ್
ಮೆಟ್ಟಿಲುಗಳ ಮೇಲೆ ನಿಂತು ದಿಟ್ಟಿಸುತ್ತಿರುವವನ ನೋಡುಗರು ಏನೆಂದು ತಿಳಿದಾರು? ಹತ್ತುತ್ತಿರುವನೆಂದೋ, ಇಳಿಯುತ್ತಿರುವನೆಂದೋ? ಯಾರೇನಾದರೂ ಅಂದುಕೊಳ್ಳಲಿ ಹೊರಗೆ ಹತ್ತುತ್ತಿರುವವನು ಇಳಿಯುತ್ತಿರಬಹುದು. ಇಳಿಯುತ್ತಿರುವವನು ಹತ್ತುತ್ತಿರಬಹುದು.
ಈಗ ಯಾರೂ ನೋಡುತ್ತಿಲ್ಲ. ನಾನು ಹತ್ತುತ್ತಿರುವೆನೋ ಇಳಿಯುತ್ತಿರುವೆನೋ ಯಾರೂ ನೋಡುತ್ತಿಲ್ಲ. ಯಾರೊಬ್ಬರೂ ಇಲ್ಲದಿರುವಾಗಲೂ ನಾನು ನನಗೆ ಪ್ರಾಮಾಣಿಕವಾಗಿ ಇರದಿದ್ದರೆ? ‘ಆತ್ಮಾರಾಮ್, ಈಗೇನು ನೀನು ಏರುತ್ತೀಯೋ, ಇಳಿಯುತ್ತೀಯೋ?’ ಬೇರೊಬ್ಬರು ಕೇಳುವ ಪ್ರಶ್ನೆಗಳಿಗೆ ಉತ್ತರಿಸಿಬಿಡಬಹುದು. ನಾನೇ ಹಾಕಿಕೊಳ್ಳುವ ಪ್ರಶ್ನೆಗೆ ನಾನೇ ಉತ್ತರಿಸುವ ಧೈರ್ಯ ಅಷ್ಟು ಸುಲಭದಲ್ಲಿ ಬರುವುದಿಲ್ಲ.
ನೂರಾರು ಆಪ್ತ ಸಮಾಲೋಚನೆಗಳಲ್ಲಿ ಸಾವಿರಾರು ಪ್ರೊಜೆಕ್ಟಿವ್ ಪ್ರಶ್ನೆಗಳನ್ನು ಕೇಳಿದ್ದೇನೆ. ನನಗೆ ನಾನೇ ಪ್ರೊಜೆಕ್ಟ್ ಮಾಡುವ ಪ್ರಶ್ನೆಯನ್ನು ನಾನು ಹಾಕಿಕೊಳ್ಳಲು ಇದುವರೆಗೂ ಆಗಿಲ್ಲ.
ಇವತ್ತು ಹಾಕಿಕೊಂಡೆ. ಅದ್ಯಾಕೋ ಮೆಟ್ಟಿಲುಗಳು ನನ್ನ ಪ್ರಶ್ನಿಸಿದವು. ಹೇ ಆತ್ಮಾರಾಮ್, ಈಗೇನು? ನೀನು ಏರುತ್ತೀಯೋ? ಇಳಿಯುತ್ತೀಯೋ?’ ಏರಿದ್ದೇನೆಂದುಕೊAಡು ಇಳಿದಿರುವ ನಾನು ಹೇಗೆ ಉತ್ತರಿಸಲಿ? ಮೆಲ್ಲನೆ ಕುಳಿತುಬಿಟ್ಟೆ.
ಹೌದು, ಈ ಮೆಟ್ಟಿಲುಗಳು ಬರೀ ಏರಲಲ್ಲ, ಇಳಿಯಲೂ ಅಲ್ಲ. ಕುಳಿತುಕೊಳ್ಳಲೂ ಹೌದು.
ಒಳಗಿರುವ ಮಾತುಗಳು ಹೊರಗೆಡವಲೂ ಅಲ್ಲ, ಒಳಗೆ ನುಂಗಿಕೊಳ್ಳಲೂ ಅಲ್ಲ. ಆದರೆ ಅವು ಬಹುಕಾಲದಿಂದ ಕಾಯುತ್ತಲೇ ಇವೆ. ಕಾದು ಕಾದು ಬಿಸಿಯೇರಿದೆ. ಈಗ ಹೊರಗೆಡಬೇಕು ಅಥವಾ ನುಂಗಬೇಕು. ಹಾಗೆಯೇ ತಣ್ಣಗಾಗುವ ಬಗೆಯೇನಾದರೂ ಇದೆಯಾ?
ನೋಡುಗರ ಕಣ್ಣಲ್ಲಿ ನಾನೊಂದು ಪರಮ ಶಾಂತಿ. ಆದರೆ ಅದು ನನ್ನೊಳಗೆ ಬರೀ ಭ್ರಾಂತಿ. ಒಳಗೆ ಪದೇ ಪದೇ ಪ್ರತಿಧ್ವನಿಸುತ್ತಿರುವ ಸದ್ದುಗಳ ಸೊಲ್ಲಡಗಿಸಿ ಸುಮ್ಮನಿರಿಸಲು ಹೇಗಾದೀತು? ಆಪ್ತ ಸಮಾಲೋಚನೆಗೆ ಬಂದವರು ಇದನ್ನು ಹೇಳಿದರೆ, “ಪದೇ ಪದೇ ಆಲೋಚನೆಗಳು ಬರುತ್ತಿದ್ದರೆ ಅದನ್ನು ಚಿಂತಾಚಕ್ರ ಅಥವಾ ಡಿumiಟಿಚಿಣioಟಿ ಎನ್ನುತ್ತೇವೆ. ಅದರಿಂದ ನೀವು ಹೊರಗೆ ಬರಬೇಕು” ಎಂದು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟು ಕಳುಹಿಸುತ್ತಿದ್ದೆ. ಆದರೆ ನನಗೆ ನಾನು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟುಕೊಳ್ಳಲು ಆಗದು.
ಸದ್ದಿಲ್ಲದ ಹಗಲಲ್ಲಿ, ಸದ್ದಡಗಿದಾಗ ರಾತ್ರಿಯಲ್ಲಿ ಹಳೆಯ ಮಾತುಕತೆಗಳು, ತಪುö್ಪಗಳು, ಬೇಸರಗಳು, ಪಶ್ಚಾತ್ತಾಪಗಳು ಮತ್ತು ವೈಫಲ್ಯಗಳು ಹಿಂದೆ ಹಿಂದೆಯೇ ಕಡಲ ತಡಿಗೆ ಬಂದಪ್ಪಳಿಸುವ ತಡೆಯಲಾಗದ ಅಲೆಗಳಾಗಿರುತ್ತವೆ. ಬೆಳಗಾದಾಗ ಗತ್ಯಂತರವಿಲ್ಲದೇ ಮಾಡುವ ಗದ್ದಲದಲ್ಲಿ ರಾತ್ರಿಗಾಗಿ ಕಾಯುತ್ತಾ ಒಳಗವಿತಿರುವ ಹೆಗ್ಗಣಗಳಂತೆ, ಜಿರಳೆಗಳಂತೆ ಅದೆಲ್ಲೋ ಬಿದ್ದಿರುತ್ತವೆ. ರಾತ್ರಿಯಾದರೆ ಸಾಕು ಮೆದುಳೆಂಬ ಒಡಕಲು ಪ್ರೊಜೆಕ್ಟರ್ ತನ್ನ ಮಾಸಲು ಸಿನಿಮಾವನ್ನು ತಂತಾನೆ ತೋರಿಸಲಾರಂಭಿಸುತ್ತವೆ.
ಅವರಿಗೆ ಇವರಿಗೆ ನಾನು ಹೇಳುವುದು ಅದೆಷ್ಟು ಕಪಟತನದ್ದು!
‘ಇದು trap of overthinking. ನೀವು ಹೊರಗೆ ಬರಬೇಕು.’
ನನಗೇ ಅವನ್ನು ನೋಡಿಕೊಳ್ಳಲು ಆಗಿಲ್ಲ. ನೋಡಿಕೊಳ್ಳಲು ಆಗಿಲ್ಲ ಎನ್ನುವುದಕ್ಕಿಂತ ನೋಡಿಕೊಳ್ಳಲು ಭಯ. ನನಗೆ ನನ್ನ ಮೇಲೆಯೇ ಜಿಗುಪ್ಸೆ ಬಂದುಬಿಟ್ಟೀತೆAಬ ಭಯ. ಆದರೆ ನೋಡಿಕೊಂಡರೆ ಬಾಧೆ ನಿವಾರಣೆಯಾಗಬಹುದು. ಚಿಂತಾಚಕ್ರ ತಿರುಗುತ್ತಿದ್ದಂತೆ, ಬಹುಕಾಲ ತಿರುಗುತ್ತಲೇ ಇದ್ದಂತೆ ಸವೆಯುವುದು. ಆ ಸವಕಳಿ ಚಿಂತಾಚಕ್ರವನ್ನು ಇಲ್ಲವಾಗಿಸದು. ಆದರೆ ಅದು ಸುತ್ತಲು ಮಧ್ಯದ ಕೀಲಾಗಿರುವ ನನ್ನ ಬಳಲಿಸುವುದು.
ಆ ಬಳಲಿಕೆಯೇ ನನ್ನ ವಯಸ್ಸಿಗಿಂತ ಹೆಚ್ಚು ಆಯಸ್ಸಾದಂತೆ ಕಾಣಿಸುವುದು. ಇರುವುದಕ್ಕಿಂತ ದೇಹ ಭಾರವಾಗಿರುವುದು.
ಹೌದಲ್ಲಾ, ಏರುತ್ತಲೋ, ಇಳಿಯುತ್ತಲೋ ಹೆಣಗಾಡುವ ಬದಲು ಕುಳಿತಾದ ಅಂದೆತದ್ದೋ ಪ್ರಶಾಂತತೆ ಒದಗಿದೆ ಇಂದು! ನನಗೆ ನಾನೇ ಹಳೆಯ ಸ್ನೇಹಿತನಾಗಿ ಕುಳಿತುಕೊಂಡು ನನ್ನದೇ ಮಾತುಗಳಿಗೆ ನಾನೇ ಕಿವಿಯಾಗುವ ಸರತಿ ಇಂದು ಒದಗಿತೇ?
ನನಗೆ ನಾನೇ ಹೇಳಿಕೊಳ್ಳುವುದು ಪರಕೀಯವೆನ್ನಿಸಿದರೂ ಒಂದಿಷ್ಟು ಉಸಿರಾಡಲು ಸರಾಗವೆನಿಸಿದೆ. ಕೈ ಮುಷ್ಟಿಗಟ್ಟಿದರೂ ಒಳಗೇ ಸಡಿಲವಾಯಿತು. ಮಡಿಸಿದ ಮೊಣಕೈ ತೊಡೆಯ ಮೇಲೆ ಒತ್ತುವುದನ್ನು ನಿಲ್ಲಿಸಿ ಹಗುರವಾಗಿ ಹತ್ತಿಯಂತೆ ಊರಿತು. ಮಧ್ಯಾಹ್ನದಲ್ಲೂ ತಂಗಾಳಿಯು ಮುಖಕ್ಕೆ ಮುತ್ತಿಡತೊಡಗಿತು.
ನಾಳೆ ಈ ಚಿಂತಾಚಕ್ರ ಮತ್ತೆ ತಿರುಗಣಿಯಾಗಬಹುದೇನೋ. ಆದರೆ ಚಿಂತೆಗಳ ನಡುನಡುವೆ ಒಂದಿಷ್ಟು ಉಸಿರುತೆಗೆದುಕೊಳ್ಳಲು ಸಾಧ್ಯವಾಗಿದ್ದು, ಏರುವುದನ್ನು, ಇಳಿಯುವುದನ್ನು ಬಿಟ್ಟು ಈ ಮೆಟ್ಟಿಲುಗಳ ಮೇಲೆ ಕೂತಿದ್ದಕ್ಕೆ.
‘ಹೌದು ಕಣೋ ಆತ್ಮಾ, ಹೌದು!’

ಅಂತರಂಗ
ಡಾ. ಆತ್ಮಾರಾಮನ ಆತ್ಮನಿವೇದನೆ ; ಒಳಗನ್ನಡಿಯಲ್ಲಿ ಮೌನದ ಮುಖ
~ಯೋಗೇಶ್ ಮಾಸ್ಟರ್, ಚಿಂತಕರು
ಆಪ್ತ ಸಮಾಲೋಚಕ ಮತ್ತು ಮನೋವೈದ್ಯ
ಹಾಗಂತಿರುವ ನನ್ನ ಮನೆಯ ಮುಂದಿನ ನನ್ನ ಪರಿಚಯ. ಅದನ್ನೇ ನಾನೆಂದು ತಿಳಿದಿರುವ ಹೊರಗಿನವರಿಗೆಲ್ಲಾ ನನ್ನೊಳಗಿರುವ ಅಪರಿಚಿತನ ಹೇಗೂ ಕಾಣಲಾಗದು.
ಲೋಕ ಕಾಣುವ ಅಥವಾ ನಾನು ತೋರುವ ಮುಖದ ಮುಸುಕನ್ನು ಸರಿಸಿ ಇಣುಕುವಷ್ಟು ಯಾರಿಗಾದರೂ ಅದೆಷ್ಟು ಬಿಡುವಿರುವುದು! ಪರದೆಯ ಮೇಲಿನ ಡಾ. ಆತ್ಮಾರಾಮನ ನೆರಳಿನಾಟವನ್ನು ಮೆಚ್ಚುವರು, ಹೊಗಳುವರು, ತೆಗಳುವರು, ತಿರಸ್ಕರಿಸುವರು; ಅವರವರ ಕಣ್ಣುಗಳ ಅಭಿರುಚಿಗೆ ತಕ್ಕಂತೆ.
ಪರರ ರುಚಿಗೆ ಎಟಕುವುದು ಚಹರೆಗಳೇ ತಾನೇ! ಅವರ ಕಣ್ಣುಗಳಿಂದಲೇ ನನ್ನ ನಾನು ಕಂಡುಕೊಳ್ಳಲು ಅಥವಾ ಕಾಣಿಸಿಕೊಳ್ಳಲು ಸಾಕಾಗಿ ನನ್ನ ಕಣ್ಣುಗಳು ಮುಚ್ಚಿಕೊಂಡವು. ಅದೆಷ್ಟೋ ಹೊತ್ತು ಹಾಗಿದ್ದೆನೋ!
ಚಹರೆಗಳ ನೆರಳುಗಳನ್ನು ನುಂಗಿಕೊAಡ ಕಣ್ಣೊಳಗಿನ ಕತ್ತಲೆಯಲ್ಲಿ ಬೆತ್ತಲೆಯಾಗಿರುವುದು ಸುಖ. ಅದು ನಿರಾಳತೆಯ ಸುಖ. ತರಾವರಿ ತೊಡುಗೆಗಳ ತೂಕವನಿಳಿಸಿಕೊಂಡ ನಿರಾತಂಕದ ನೆಮ್ಮದಿ. ಕತ್ತಲು; ಅದೆಷ್ಟು ಆಳ! ಗೂಢತೆಗಳ ಮೇಳವದೆಷ್ಟಿದ್ದರೂ ತೋರ್ಪಡಿಸಿಕೊಳ್ಳುವ ಕಾತುರವಿಲ್ಲದ ನಿರಹಂಕಾರದ ನಿರಾಳತೆ!
ಬೆಳಕಿನದೇ ಸಮಸ್ಯೆ. ಅದರಲ್ಲದೆಷ್ಟು ಬಣ್ಣಗಳು, ಬಣ್ಣನೆಗಳು. ವ್ಯತ್ಯಾಸಗಳು, ವ್ಯತ್ಯಯಗಳು. ಸಮೀಕರಣಗಳು, ಅಸಮಾನತೆಗಳು. ಉಪಮೆಗಳು, ಉದಾಹರಣೆಗಳು. ಸಾಧಾರಣಗಳು, ಅಸಾಧರಣಗಳು. ಅಸೂಯೆಗಳು, ಆಯಾಸಗಳು. ಕತ್ತಲು ನೆಮ್ಮದಿ. ಮುಚ್ಚಿರುವ ಕಣ್ಣೊಳಗಿನ ಕತ್ತಲಿನಲ್ಲಿ ಕಾಣತೊಡಗಿದ ನನ್ನ ಬಿಂಬವನ್ನು ನೋಡುತ್ತಲೇ ಕುಳಿತುಬಿಟ್ಟೆ. ಹೌದಲ್ಲಾ, ಇಷ್ಟು ಕಾಲ ಮುಚ್ಚಿಟ್ಟಿದವರೇ ಈಗ ಬಿಚ್ಚಿಡುತ್ತಿದ್ದಾರೆ.
ಹೌದು, ಮನಸ್ಸೆಂಬುದೇ ಹಾಗೆ. ಅದು ತನಗೆ ತಾನೇ ತೊಂದರೆಯನ್ನು ಉಂಟುಮಾಡಿಕೊಳ್ಳುತ್ತದೆ. ತಾನೇ ಗೋಗರೆಯುತ್ತದೆ. ತಾನೇ ಸಹಾಯವನ್ನು ನಿರಾಕರಿಸುತ್ತದೆ. ತಾನೇ ಗೋಳಿಡುತ್ತದೆ. ತಾನೇ ಸಂತೈಸುತ್ತದೆ.
ತಿಕ್ಕಲು, ತಾನೇ ಹಾಳು ಮಾಡುವುದು, ತಾನೇ ಗೋಳಿಡುವುದು, ತಾನೇ ಸರಿ ಮಾಡುವುದು. ಈಗ ಸರಿಮಾಡಿಕೊಳ್ಳುವ ಮಗ್ಗುಲಿಗೆ ತಿರುಗಿಕೊಂಡಿದೆ. ಸರಿ ಹೋಗಿಬಿಡಲಿ.
ಸರಿ ಹೋಗುವುದೋ ಬಿಡುವುದೋ, ಸರಿಯಿಲ್ಲ, ಸರಿ ಮಾಡಬೇಕಾಗಿದೆ ಅಂತ ಗೊತ್ತಾಯಿತಲ್ಲಾ ಅಷ್ಟೇ ಸಾಕು.
ರೋಗವಿದೆ ಎಂಬ ಅರಿವು ಬಹುದೊಡ್ಡ ಉಪಶಮನ. ರೋಗವನ್ನೇ ಆರೋಗ್ಯವೆಂದು ಭಾವಿಸಿದ್ದು, ಈಗ ರೋಗ ಎಂದು ತಿಳಿಯಿತಲ್ಲಾ, ಅದೇ ಗುಣಮುಖವಾಗುವ ಮುನ್ಸೂಚನೆ.
ಇಷ್ಟೂ ದಿನಗಳ ಕಾಲ ಕನ್ನಡಿಯೊಳಗೆ ಮುಖ ನೋಡಿಕೊಳ್ಳುತ್ತಿದ್ದದ್ದು, ಇತರರಿಗೆ ಹೇಗೆ ಕಾಣಿಸುತ್ತೇನೆ, ಹೇಗೆ ಕಾಣಿಸಬೇಕು ಎಂದು. ಆದರೆ ಇಂದು ಕತ್ತಲಿನ ಕನ್ನಡಿಯಲ್ಲಿ ಕಾಣುತ್ತಿರುವ ಮುಖದ ಒಳಗಿನ ಮೌನ ತನ್ನ ಗುರುತಿನ ಪರದೆಯನ್ನು ಹರಿಯುತ್ತಿದೆ. ಯಾವ ಅಡಿಗಿದ್ದ ಮೌನ ನನ್ನಾತ್ಮದ ಕವಚವಾಗಿತ್ತೋ ಅದು ಕಾರಾಗೃಹವೆನಿಸಿ ಉಸಿರುಕಟ್ಟಿಸಿದ್ದು ಒಳ್ಳೆಯದೇ ಆಯಿತು.
ಮೌನ ದನಿಯಾಗುತ್ತಿದೆ. ದನಿ ಬನಿಯಾಗುತ್ತಿದೆ.
ಹಾಗಾಗಿಯೇ ಬೆಳಕಿನಲ್ಲಿ ವಿವಿಧ ಬಣ್ಣಗಳನ್ನು ಹಚ್ಚಿ ಬಣ್ಣಿಸಿದ್ದ ಎಲ್ಲಾ ಸಂಬAಧಗಳು, ಸಂಗತಿಗಳು, ಸಂವಹನಗಳು, ಸಂಘರ್ಷಗಳು ಈಗ ನೆನಪಿನ ನೆರಳುಗಳಾಗಿ ಆಳವಾದ ಕತ್ತಲಲ್ಲಿ ಬಣ್ಣ, ಬಣ್ಣನೆಗಳನ್ನು ಕಳೆದುಕೊಂಡಿವೆ.
ಅವರಿವರ ಮನಸ್ಸುಗಳ ಮಸುಕು ಮಾಡುವ ಮುಸುಕುಗಳ ತೆಗೆಯಲು ಸಹಕರಿಸುತ್ತಿದ್ದವನಿಗೆ ಸ್ವಸಹಾಯ ಮಾಡಿಕೊಳ್ಳಲು ಅದೇ ಮನಸ್ಸು ಮನಸ್ಸು ಮಾಡಿದೆ. ಆಗಲಿ, ಅದೂ ಆಗಿ ಹೋಗಲಿ.
ಮನೋವೈದ್ಯ ತನ್ನೊಳಗಿನ ರೋಗವನ್ನು ಪತ್ತೆ ಮಾಡಿಕೊಳ್ಳಲಿ. ಆಪ್ತ ಸಮಾಲೋಚಕ ತನ್ನಿರುವಿಗೆ, ತನ್ನಾಳಕೆ ಒಂದಿಷ್ಟು ಕಾಲ ಆಪ್ತನಾಗಿರುವ ಅವಕಾಶವನ್ನು ದಕ್ಕಿಸಿಕೊಳ್ಳಲಿ. ಮೌನವನ್ನು ಓದುವ ಓರಗೆಯವರಿದ್ದಾರೆ. ಓದಲಿ.
ವೈದ್ಯನೊಬ್ಬ ತಾನು ರೋಗಿಯಾಗಿರಲಿಲ್ಲ, ಅಥವಾ ತನಗೆ ರೋಗ ಬರುವುದಿಲ್ಲ ಎನ್ನುವುದು ಆತ್ಮವಂಚನೆ. ತನಗೆ ತಾನು ವಂಚಿಸಿಕೊಳ್ಳುವವನು ಜಗತ್ತಿನ ಯಾರೊಂದಿಗೆ ವಿಶ್ವಾಸವನ್ನು ಸಂಚಯ ಮಾಡಿಯಾನು!
ಮತ್ತೆ ಸಿಕ್ಕಿದನವನು ಮೌನದಲಿ
ಕಳೆದಿದ್ದವನು ಗದ್ದಲದಲಿ
ಗಾಯಗಳು ಮರೆತಿವೆ
ನೋವಿಲ್ಲದ ಕಲೆಗಳ ಹಿಂದೆ
ಪ್ರತಿ ಉಸಿರು ಆಸೆಗಳ ಬಸಿರು
ಹೆರಲಾಗದೆ ಘನವಾದ ಕಣ್ಣೀರು
ಕರಗುವುದೊಮ್ಮೆ ಹೆಪುö್ಪಗಟ್ಟಿದ ಕಾರ್ಮೋಡ
ಸುರಿವುದಲ್ಲಿ ಒಳಗಣ್ಣಿಂದ ಮಳೆಯು ನೋಡ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ದಿಮಾಗಿ ನಕ್ಸಲ್-ನಗರ ನಕ್ಸಲ್
~ರಹಮತ್ ತರೀಕೆರೆ, ಚಿಂತಕರು
ಕಾರ್ನಾಡರಲ್ಲಿ ನನಗೆ ಮೊದಲಿಂದಲೂ ವೈಯಕ್ತಿಕ ಸಂಪರ್ಕ ಇರಲಿಲ್ಲ. ಅನಂತಮೂರ್ತಿ ಅವರಂತೆ ಅವರು ಕಿರಿಯ ಲೇಖಕರ ಜತೆ ನಂಟಿರಿಸಿಕೊಂಡವರಲ್ಲ. ಯಾರಿಗಾದರೂ ಮುನ್ನುಡಿ ಬರೆದಿದ್ದೂ ನನಗೆ ತಿಳಿದಿಲ್ಲ. ತಾವಾಯಿತು ತಮ್ಮ ಬರೆಹ, ಸಿನಿಮಾ ಆಯಿತು ಎಂದಿದ್ದವರು. ಮಹಾರಾಷ್ಟ್ರದಲ್ಲಿ ಹುಟ್ಟಿ, ಜೀವಿತದ ಬಹುಕಾಲ ಕರ್ನಾಟಕದ ಹೊರಗಿದ್ದ ಅವರು, ಕರ್ನಾಟಕದ ಸಾರ್ವಜನಿಕ ಕಾರ್ಯಕ್ರಮಗಳಲ್ಲೂ ಹೆಚ್ಚು ಕಾಣಿಸಿದವರಲ್ಲ. ಸಮಕಾಲೀನರಾದ ತೇಜಸ್ವಿ ಲಂಕೇಶ್ ಅನಂತಮೂರ್ತಿ ಅವರಂತೆ ಪಬ್ಲಿಕ್ ಇಂಟಲೆಕ್ಚುವಲ್ ಕೆಲಸವನ್ನು ಮೈಮೇಲೆ ಹಾಕಿಕೊಂಡು, ಕರ್ನಾಟಕದ ಕಷ್ಟದ ದಿನಗಳಲ್ಲಿ ತಮ್ಮ ಮಾತು ಭಾಷಣ ಬರೆಹಗಳಿಂದ ಜನಾಭಿಪ್ರಾಯ ರೂಪಿಸಿದವರಲ್ಲ.
ಹೀಗಿದ್ದ ಕಾರ್ನಾಡರು ಬಾಳಿನ ಕೊನೆಯ ವರ್ಷಗಳಲ್ಲಿ ಆಶ್ಚರ್ಯಕರವಾಗಿ ಬದಲಾದರು; ಸಾರ್ವಜನಿಕ ಮಹತ್ವದ ಪ್ರಸಂಗಗಳಲ್ಲಿ ಮಾತಾಡಿದರು. ಹಠಬಿದ್ದಂತೆ ಬೀದಿಗಿಳಿದರು. ಈ ರೂಪಾಂತರಕ್ಕೆ ಕಾರಣ, ಪ್ರಭುತ್ವಗಳು ರಾಜಕೀಯ ಸೈದ್ದಾಂತಿಕ ಭಿನ್ನಮತಗಳನ್ನು ದಮನಿಸುವ ನಡೆಗಳಿರಬಹುದು; ಅನಂತಮೂರ್ತಿ ತೇಜಸ್ವಿ ಲಂಕೇಶ್ ತೀರಿಕೊಂಡ ಬಳಿಕ, ಉಂಟಾದ ರಿಕ್ತತೆ ಅವರನ್ನು ಈ ಹೊಸ ಪಾತ್ರ ನಿರ್ವಹಿಸುವಂತೆ ಆಹ್ವಾನಿಸಿರಬಹುದು. ಅವರು ತಮ್ಮ ಮಾತು, ಕೃತಿ, ಕ್ರಿಯೆಗಳಲ್ಲಿ ಭಾರತವನ್ನು ಆವರಿಸುತ್ತಿರುವ ಮತೀಯತೆ ಕುರಿತು ವ್ಯಗ್ರರಾಗಿದ್ದರು.
ಅವರು ಮಾಡಿದ ಸಾರ್ವಜನಿಕ ಪ್ರತಿರೋಧದ ಪ್ರಕರಣಗಳನ್ನು ಗಮನಿಸಬೇಕು. ಬಾಬರಿ ಮಸೀದಿಯ ಧ್ವಂಸವನ್ನು ವಿರೋಧಿಸಿದ್ದು; ನೈಪಾಲರ ಬಲಪಂಥೀಯವಾದ ಬೆಂಬಲಿಸುವ ನಿಲುವನ್ನು ಖಂಡಿಸಿದ್ದು; ಬಾಬಾಬುಡನಗಿರಿ ಚಳುವಳಿಯಲ್ಲಿ ಭಾಗವಹಿಸಿದ್ದು; ಟಿಪ್ಪು ನೆನಪಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು; ಟಿಪ್ಪು ಕುರಿತು ನಾಟಕ ಬರೆದಿದ್ದು; ಎಂ. ಎಫ್. ಹುಸೇನರ ಸೃಜನಶೀಲತೆ ಪರವಾಗಿ ನಿಂತಿದ್ದು; ಗೋರಕ್ಷಣೆ ಹೆಸರಲ್ಲಿ ನಡೆಯುತ್ತಿರುವ ಉಪಟಳ ವಿರೋಧಿಸಿ `ನಮ್ಮ ಆಹಾರ ನಮ್ಮ ಹಕ್ಕು’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು. ಇಲ್ಲಿನ ಕೊನೆಯ ಕಾರ್ಯಕ್ರಮದಲ್ಲಿ ಅವರೊಟ್ಟಿಗೆ ಅನಂತಮೂರ್ತಿಯವರೂ ಇದ್ದರು. ಭಾರತದಲ್ಲಿ ಇಬ್ಬರು ಜ್ಞಾನಪೀಠ ಲೇಖಕರು ಇಂತಹದೊಂದು ಸಾರ್ವಜನಿಕ ಪ್ರತಿರೋಧದ ಕಾರ್ಯಕ್ರಮದಲ್ಲಿ ಒಟ್ಟಿಗೆ ಭಾಗವಹಿಸಿದ್ದು ಅಪೂರ್ವ ಸಂಗತಿ.
ನನಗೆ ಅವರ ಜತೆ ಮೊದಲ ಮುಖಾಬಿಲೆ ಆಗಿದ್ದು ಬಾಬಾಬುಡನಗಿರಿಗೆ ಮಾಡಿದ ಪಯಣದಲ್ಲಿ. ಸೂಫಿಗಳ ಮೇಲೆ ತುಸು ಅಧ್ಯಯನ ಮಾಡಿದವನೆಂದು ನನ್ನನ್ನು ಅವರೊಟ್ಟಿಗೆ ಕೂರಿಸಲಾಗಿತ್ತು. ಅವರ ಗಂಭೀರ ಸ್ವಭಾವದ ಬಗ್ಗೆ ತಿಳಿದಿದ್ದ ನಾನು, ಅವರಾಗಿ ಏನಾದರೂ ಕೇಳಿದರೆ ಮಾತ್ರ ಹೇಳಬೇಕೆಂದು, ಸಹಪಯಣದ ಖುಶಿಯನ್ನು ಅನುಭವಿಸುತ್ತ ಜತೆಗೆ ಕೂತಿದ್ದೆ. ಗಿರಿಯನ್ನು ವಾಹನ ಹತ್ತುವಾಗ, ನೆತ್ತಿಮೇಲಣ ಶಿಖರಗಳನ್ನೂ ಕೆಳಗಿನ ಕಣಿವೆಗಳನ್ನೂ ನೋಡುತ್ತ ಕಾರ್ನಾಡರು `ಓಹ್ ಎಷ್ಟೊಂದು ಸುಂದರವಾಗಿದೆಯಲ್ಲ’’ ಎಂದು ಉದ್ಗರಿಸುತ್ತ ಮಗುವಿನಂತೆ ಪುಟಿಯುತ್ತಿದ್ದರು.
ಅವರೊಬ್ಬ ಸೆಲೆಬ್ರಿಟಿಯಾದರೂ ಸರಳವ್ಯಕ್ತಿ. ಅಭಿನಯ ಅವರ ವೃತ್ತಿಯಾದರೂ ವ್ಯಕ್ತಿಯಾಗಿ ತೋರಿಕೆಯೇ ಇಲ್ಲದ ನೇರಗುಣದವರು. ಗೋಕರ್ಣದಲ್ಲಿ ನಡೆದ ಗೌರೀಶ ಕಾಯ್ಕಿಣಿಯವರ ಶತಮಾನೋತ್ಸವ ಕಾರ್ಯಕ್ರಮದಲ್ಲಿ ನಮ್ಮನ್ನು ತೋಟದ ಮನೆಯೊಂದರಲ್ಲಿ ಉಳಿಸಲಾಗಿತ್ತು. ಕಾರ್ನಾಡರು ನನಗಿಂತಲೂ ವೈದ್ಯೆಯಾದ ನನ್ನ ಮಗಳ ಜತೆ ಹೆಚ್ಚು ಮಾತನಾಡಿದರು. ಆದಿನ ನಾನು ಅವರ `ಆಡಾಡ್ತಾ ಆಯುಷ್ಯ’ ಒಳಗೊಂಡಂತೆ (ಬೆರಗು ಹುಟ್ಟಿಸುವ ಭಾಷೆಯುಳ್ಳ ವಿಶಿಷ್ಟ ಗದ್ಯಶೈಲಿಯ ಕೃತಿಯಿದು) ಕನ್ನಡದ ಆತ್ಮಕತೆಗಳ ಬಗ್ಗೆ ಉಪನ್ಯಾಸ ಮಾಡಿದೆ. ಬಸಳೆಸೊಪ್ಪಿನ ಹೊರೆಯನ್ನು ಅವರ ಕೈಯಿಂದ ಉಡುಗೊರೆ ಕೊಡಿಸಲಾಯಿತು. ಉಪನ್ಯಾಸದ ಬಳಿಕ ಕಾರ್ನಾಡರು ಕೇಳಿದರು: “ಭಾರತದ ಮೊಟ್ಟಮೊದಲ ಆತ್ಮಕಥೆ `ಅರ್ಧಕಥಾನಕ’ ಓದಿದ್ದೀರಾ?” “ಇಲ್ಲ” “ನೀವು ಓದಲೇಬೇಕು. ಅಪರೂಪದ ಪುಸ್ತಕ. 16ನೇ ಶತಮಾನದ್ದು’’. ಬೆಂಗಳೂರಿಗೆ ಹೋದೊಡನೆ ನೆರಳಚ್ಚನ್ನು ಕಳಿಸಿಕೊಟ್ಟರು. ವ್ಯವಹಾರ ಪ್ರಜ್ಞೆಯಿಲ್ಲದವನೂ ಕಾವ್ಯಪ್ರೇಮಿಯೂ ಆದ ಜೈನ ವ್ಯಾಪಾರಿಯೊಬ್ಬನ ರೋಚಕ ಅನುಭವಗಳ ಕಥನವದು.
ಹೀಗೆ ಸಣ್ಣಗೆ ಆರಂಭವಾದ ಪರಿಚಯ `ಅಮೀರಬಾಯಿ ಕರ್ನಾಟಕಿ’ ಪುಸ್ತಕದ ಸನ್ನಿವೇಶದಲ್ಲಿ ಧಕ್ಕೆಗೊಳಗಾಯಿತು. ನಾನು ಅಮೀರಬಾಯಿ ಸಂಶೋಧನೆಗೆಂದು ಪುಣೆ ಮುಂಬೈ ತಿರುಗಾಡುವಾಗ, ಮಹಾರಾಷ್ಟ್ರದಲ್ಲಿ ಕಾರ್ನಾಡರಿಗೆ ಸಿನಿಮಾ ಮತ್ತು ಸಾಹಿತ್ಯ ಕ್ಷೇತ್ರದಲ್ಲಿರುವ ಮರ್ಯಾದೆಯನ್ನು ಗಮನಿಸಿದ್ದೆ. ಮರಾಠಿ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾಡಿದ ದಿಟ್ಟ ಭಾಷಣವು-ಅದರಲ್ಲಿ ರಾಜಕೀಯ ಪಕ್ಷಗಳು ಸೈನೀಕರಣಗೊಳ್ಳುವುದರ ಬಗ್ಗೆ ಕಟುವಾದ ವಿಮರ್ಶೆಯಿದೆ- ಅಲ್ಲಿನ ಲೇಖಕರು ನೆನಪಿಟ್ಟಿದ್ದರು. ಕನ್ನಡ-ಮರಾಠಿ ಸಾಂಸ್ಕøತಿಕ ಬಾಂಧವ್ಯದ ಕೊಂಡಿಯಾಗಿದ್ದ ಅಮೀರಬಾಯಿ ಕುರಿತ ಹೊತ್ತಗೆಯನ್ನು ಅವರೇ ಬಿಡುಗಡೆ ಮಾಡಿದರೆ ಚೆನ್ನವೆನಿಸಿತು. ಹೇಗೂ `ಸಾಹಿತ್ಯ ಸಂಭ್ರಮ’ದ ಕಾರ್ಯಕ್ರಮಕ್ಕಾಗಿ ದಿನ ಮೊದಲೇ ಧಾರವಾಡಕ್ಕೆ ಬರುತ್ತಿದ್ದರು. ಹಿಂದಿನ ದಿನ ಸಂಜೆ ಬಿಡುಗಡೆ ಮಾಡಲು ಸಾಧ್ಯವೇ ಎಂದು ಕೇಳಿದೆ. ಕೂಡಲೇ ಒಪ್ಪಿದರು.
ಆದರೆ ಸಾಹಿತ್ಯ ಸಂಭ್ರಮ ಕಾರ್ಯಕ್ರಮದ ಸ್ವರೂಪದ ಬಗ್ಗೆ ಭಿನ್ನಮತ ವ್ಯಕ್ತಪಡಿಸಿ ನಾನು ಭಾಗವಹಿಸದೆ ಹೊರಗುಳಿದೆ. ಕಾರ್ನಾಡರು ಕರೆ ಮಾಡಿ “ನೀವು ಸಂಭ್ರಮಕ್ಕೆ ಬರಲು ನಿರಾಕರಿಸಿದರಂತೆ. ನಿಜವೇ?’’ ಎಂದು ಕೇಳಿದರು. ಹೌದೆಂದೆ. `ಹಾಗಿದ್ದಲ್ಲಿ ನಿಮ್ಮ ಕಾರ್ಯಕ್ರಮಕ್ಕೆ ಬರಲಾರೆ, ಕ್ಷಮಿಸಿ’ ಎಂದರು. `ಆಗಲಿ’ ಎಂದೆ. ಅವರಿಗೆ ತಾನು ಹಾಗೆ ಮಾಡಿದ್ದು ಸರಿಯಲ್ಲ ಅನಿಸಿರಬೇಕು. ಧಾರವಾಡದಲ್ಲಿರುವ ತಮ್ಮ ಒಡನಾಡಿ ಸುರೇಶ ಕುಲಕರ್ಣಿಯವರೊಟ್ಟಿಗೆ ತಮ್ಮ ಚಡಪಡಿಕೆ ಹಂಚಿಕೊಂಡರಂತೆ. ಆದರೆ ನಾನು ಕಾರ್ಯಕ್ರಮ ಮುಗಿದ ಬಳಿಕ ಪುಸ್ತಕದ ಗೌರವಪ್ರತಿ ಕಳಿಸಿಕೊಟ್ಟೆ. ಚೆನ್ನಾಗಿ ಬಂದಿದೆ ಎಂದು ಪತ್ರ ಬರೆದರು. ಅವರು ಆ ಘಟನೆಯನ್ನು ಮನಸ್ಸಿನಲ್ಲಿ ಇಟ್ಟುಕೊಂಡಂತೆ ಕಾಣಲಿಲ್ಲ. ತಮ್ಮ ಪರಿಚಿತರು ಯಾರಾದರೂ ಹಂಪಿ ನೋಡಬಯಸಿದರೆ, ನನ್ನ ಸಲಹೆ ಪಡೆಯಲು ಹೇಳುತ್ತಿದ್ದರು. ಒಮ್ಮೆ ಅವರ ನಾಟಕಗಳಲ್ಲಿ ನಟಿಸುವ ಬಂಗಾಳದ ನಟಿ ಹಂಪಿಯಲ್ಲಿ ಹಣ ಪಾಸ್ಪೋರ್ಟುಳ್ಳ ಪರ್ಸನ್ನು ಕಳೆದುಕೊಂಡರು. ಕಾರ್ನಾಡರು ಕರೆಮಾಡಿ ಆಕೆಗೆ ಬೆಂಗಳೂರಿನ ತನಕ ಬರಲು ಸಹಾಯ ಮಾಡುವುದು ಸಾಧ್ಯವೇ ಎಂದು ಕೇಳಿದರು.
ಸಂವಾದಕ್ಕೆ ಸದರವಾಗಿ ಸಿಗುವ ಲೇಖಕರಲ್ಲದ ಗಿರೀಶ್, ಬಾಳಿನ ಕೊನೆಯ ದಿನಗಳಲ್ಲಿ ತಮ್ಮ ಲಾಗಾಯ್ತಿನ ಸ್ವಭಾವಕ್ಕೆ ಪ್ರತಿಯಾಗಿ, ಸಾಂಸ್ಕøತಿಕ ನಾಯಕತ್ವದ ದನಿ ಮೊಳಗಿಸಿದರು. ತಮಗೆ ತಪ್ಪೆಂದು ಕಂಡ ವಿಷಯಗಳಲ್ಲಿ ಪರಿಣಾಮ ಲೆಕ್ಕಿಸದೆ ದಿಟ್ಟತನದ ನಿಲುವು ತೆಗೆದುಕೊಂಡರು. ತಮ್ಮ ತಾತ್ವಿಕ ರಾಜಕೀಯ ನಿಲುವಿಗೆ ವಿರುದ್ಧವಿರುವ ದೊಡ್ಡ ಸಾಧಕರನ್ನೂ ಲೆಕ್ಕಿಸದೆ ಶಾಬ್ದಿಕ ಹಿಂಸೆಗೆ ಗುರಿಪಡಿಸುವ ಈಚಿನ ಪದ್ಧತಿಗೆ ಬಲಿಯೂ ಆದರು. ಗೌರಿಲಂಕೇಶ್ ಸ್ಮರಣ ಕಾರ್ಯಕ್ರಮಕ್ಕೆ `ನಾನೂ ನಗರ ನಕ್ಸಲ್’ ಎಂದು ಕೊರಳಿಗೆ ಬೋರ್ಡು ಸಿಕ್ಕಿಸಿಕೊಂಡು ಬಂದ ಸನ್ನಿವೇಶ ನೆನಪಾಗುತ್ತಿದೆ. ಅದು ತೀರಾ ನಾಟಕೀಯವಾಗಿತ್ತು. ಆದರೆ ಅವರ ಸ್ಪಷ್ಟತೆ ಧೈರ್ಯ ಸಿಟ್ಟು ಹತಾಶೆ ಆಕ್ಟಿವಿಸಂಗಳ ಆತ್ಯಂತಿಕ ರೂಪಕವಾಗಿತ್ತು. ಆರೋಗ್ಯ ಸರಿಯಿರಲಿಲ್ಲ. ಕೈಯಲ್ಲಿ ಆಮ್ಲಜನಕದ ಸಿಲಿಂಡರನ್ನು ಹಿಡಿದಿದ್ದರು. ಅಪರಾಧಿಗಳ ಕೊರಳಿಗೆ ಫಲಕ ತೂಗುಹಾಕುವುದು ಕ್ರಮವಿದೆ. ಶಿಲುಬೆಗೇರಿದ ಕ್ರಿಸ್ತನ ಕೊರಳಿಗೂ `ನಜರೇತಿನ ಅರಸ’ ಎಂಬ ವ್ಯಂಗ್ಯದ ಫಲಕ ತೂಗಿಸಲಾಗಿತ್ತು. ಆದರೆ ಕಾರ್ನಾಡರು ಇದನ್ನು ಸ್ವತಃ ಧಾರಣಮಾಡಿದ್ದರು. `ವಿಚಾರ ಮಾಡುವುದು, ಪ್ರಭುತ್ವವನ್ನು ವಿಮರ್ಶಿಸುವುದು, ಮತಧರ್ಮದ ಹಿಂಸೆ ಖಂಡಿಸುವುದು ಅಪರಾಧವಾದರೆ ನಾನೂ ಅಪರಾಧಿ’ ಎಂಬ ನಾಟಕೀಯ ತಪ್ಪೊಪ್ಪಿಗೆಯನ್ನು ಅದು ಒಳಗೊಂಡಿತ್ತು. ಜನಪದ ಮಿತ್ ಮತ್ತು ಪುರಾಣಗಳನ್ನು ನಾಟಕಗಳಿಗೆ ದುಡಿಸಿಕೊಂಡ ಕಾರ್ನಾಡರು ನಾಗರಿಕ ಹಕ್ಕುಗಳ ವಿಷಯ ಬಂದರೆ, ಮುಕ್ತ ಸಮಾಜದ ಪರವಾದ ಆಕ್ಸಫರ್ಡ್ ಪದವೀಧರರೇ. ನಾಗರಿಕ ಸಮಾಜವೊಂದರಲ್ಲಿ ಸಹಜವಾಗಿ ಇರಬೇಕಾದ ಸ್ವಾತಂತ್ರ್ಯದ ಪರವಾಗಿ ಅವರು ಸದಾ ಆಲೋಚಿಸುತ್ತಿದ್ದರು. ಫಲಕದಲ್ಲಿರುವ ಬರೆಹವು ಸ್ವಹಸ್ತಾಕ್ಷರದಲ್ಲಿತ್ತು. ದೇಶದ ಸುದ್ದಿಯಾಗಬೇಕೆಂದೇ ಇಂಗ್ಲೀಶಿನಲ್ಲಿತ್ತು. ಅದರಲ್ಲಿ ದೇಶೀಭಾಷೆಯ ಲೇಖಕ ಎಂಬುದನ್ನು ದಾಖಲಿಸುವಂತೆ `ನಾನು ಕೂಡ’ ಎಂಬ ಎರಡು ಪದಗಳು ಕನ್ನಡದಲ್ಲಿದ್ದವು. ಉಸಿರ್ಗಟ್ಟಿಸುವ ಸನ್ನಿವೇಶಕ್ಕೆ ತುಡಿಯುವಂತೆ ಕೈಯಲ್ಲಿ ಆಕ್ಸಿಜನ್ ಸಿಲಿಂಡರಿತ್ತು.
ಅದೊಂದು ಅಭಿಮಾನ ಉಕ್ಕಿಸುವ ಮತ್ತು ಎದೆಕರಗಿಸುವ ಚಿತ್ರ; ಸಮಾಜದ ಹದುಳಕ್ಕಾಗಿ ತನ್ನ ಬೇನೆಯಲ್ಲೂ ಲೇಖಕ ರಿಸ್ಕ್ ತೆಗೆದುಕೊಳ್ಳುವ ಪ್ರತೀಕ. ಕಾರ್ನಾಡರಲ್ಲಿ ಲೆಕ್ಕಾಚಾರ ದ್ವಂದ್ವ ಇರಲಿಲ್ಲ. ಅಂತರಂಗಕ್ಕೆ ಸರಿಯೆನಿಸಿದ್ದನ್ನು ಹೇಳುವ-ಮಾಡುವ ಪ್ರಾಮಾಣಿಕತೆಯಿತ್ತು. ಇದು ಅವರ ಶವಸಂಸ್ಕಾರದಲ್ಲೂ ವ್ಯಕ್ತವಾಯಿತು. ಅವರು ಸತ್ತು ದೊಡ್ಡವರಾದವರು; ಅವರನ್ನು ಕೆಟ್ಟದಾಗಿ ನಡೆಸಿಕೊಂಡು ಬದುಕಿರುವ ನಾವು ಸಣ್ಣವರಾದೆವು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days agoಬಿಜೆಪಿ ರೈತ ಮೋರ್ಚಾದಿಂದ ಬಂದ್ಗೆ ಕರೆ; ಹಲವು ವೃತ್ತಗಳಲ್ಲಿ ಟೈರ್ಗೆ ಬೆಂಕಿ, ಬೆಂಕಿ ನಂದಿಸಿದ ಪೊಲೀಸರು
-
ದಿನದ ಸುದ್ದಿ6 days agoಬೆಂಗಳೂರು ಕಟ್ಟಡ ತೆರವು ಕಾರ್ಯಾಚರಣೆ: 18 ಅಂತಸ್ತಿನ ಅಪಾರ್ಟ್ಮೆಂಟ್ಗೆ ‘ಡೆಮಾಲಿಷನ್’ ಶುರು!
-
ದಿನದ ಸುದ್ದಿ6 days agoಕಲಬುರಗಿ ಪಾಲಿಕೆಯಲ್ಲಿ ಮತ್ತೆ ಕಾಂಗ್ರೆಸ್ ಮೇಲುಗೈ: ಮೇಯರ್-ಉಪ ಮೇಯರ್ ಸ್ಥಾನವೂ ‘ಕೈ’ ತೆಕ್ಕೆಗೆ!
-
ದಿನದ ಸುದ್ದಿ7 days agoವಾಲ್ಮೀಕಿ ಹಗರಣದ ಕಿಡಿ ಮತ್ತೆ ಬಳ್ಳಾರಿಯಲ್ಲಿ: ನಾಗೇಂದ್ರ ವಿರುದ್ಧ ಜನಾರ್ಧನ ರೆಡ್ಡಿ ವಾಗ್ದಾಳಿ, ಕಾಂಗ್ರೆಸ್ಗೆ ರಾಜೀನಾಮೆ ಸವಾಲು!
-
ದಿನದ ಸುದ್ದಿ7 days agoವೈದ್ಯಕೀಯ ಕಾಲೇಜುಗಳ ಹಾಸ್ಟೆಲ್ ಕ್ಯಾಂಟೀನ್ಗಳಿಗೆ ಅಧಿಕಾರಿಗಳ ಶಾಕ್! 34 ಕ್ಯಾಂಟೀನ್ ಪರಿಶೀಲನೆ, 5ಕ್ಕೆ ನೋಟಿಸ್
-
ದಿನದ ಸುದ್ದಿ7 days agoTrump Oil Deal: ವೆನೆಜುವೆಲಾದ 65 ಬಿಲಿಯನ್ ಬ್ಯಾರೆಲ್ ತೈಲದ ಮೇಲೆ ಅಮೆರಿಕದ ಕಣ್ಣು; ಇದು ವಿಶ್ವದ ಅತಿದೊಡ್ಡ ಡೀಲ್ನಾ?
-
ದಿನದ ಸುದ್ದಿ7 days agoಪಾಕ್ ಗಡಿಯಿಂದ ಡ್ರೋನ್ ಎಂಟ್ರಿ ಶಂಕೆ: ಪೂಂಚ್ನಲ್ಲಿ ಹೈ ಅಲರ್ಟ್, 3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಬೇಟೆ
-
ದಿನದ ಸುದ್ದಿ4 days agoಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಸಿಹಿಸುದ್ದಿ: 4,744 ತಾಂತ್ರಿಕೇತರ ಹಾಗೂ ತಾಂತ್ರಿಕ ಹುದ್ದೆಗಳ ನೇಮಕಾತಿಗೆ ಸಿದ್ಧತೆ

