Connect with us

ಅಂತರಂಗ

ಅರಿಮೆಯ ಅರಿವಿರಲಿ-6 : ಮಗಳೆಂಬ ಸವತಿ

Published

on

Art by Evan Hauton
  • ಯೋಗೇಶ್ ಮಾಸ್ಟರ್

ಸಾಮಾನ್ಯವಾಗಿ ಅಕ್ಕ ತಂಗಿಯರಲ್ಲಿ ಇರುವಂತಹ ಸಂಘರ್ಷದ ಅತಿರೇಕವು ಅಣ್ಣ ತಂಗಿಯಲ್ಲಿ ಅಥವಾ ಅಕ್ಕ ತಮ್ಮನಲ್ಲಿ ಇಲ್ಲದಿರುವುದಕ್ಕೆ ಕಾರಣವು ಬರಿಯ ವ್ಯಕ್ತಿಗತ ವರ್ತನೆಗಳೇ ಅಥವಾ ಮನುಷ್ಯನ ಮಾನಸಿಕ ಸಂರಚನೆಯೇ?

ಅಮ್ಮ ಮತ್ತು ಮಗಳಲ್ಲಿ ಇರುವಂತಹ ಸಂಘರ್ಷವು ದೂರು ಪ್ರತಿದೂರುಗಳು ತಂದೆ ಮಗಳಲ್ಲಿ ಇಲ್ಲವೇ ಇಲ್ಲವೆನ್ನುವಷ್ಟು ಕಡಿಮೆ ಎಂಬುದು ತಂದೆಗೆ ಮಗಳ ಮೇಲೆ ಹೆಚ್ಚು ಮಮತೆಯೇ? ತಾಯಿಗಿಲ್ಲವೇ? ‌ಈಗಾಗಲೇ ಈಡಿಪಸ್ ಕಾಂಪ್ಲೆಕ್ಸ್ ಅಥವಾ ತಾಯಿಯರಿಮೆಯನ್ನು ತಿಳಿದವರಿಗೆ ಇದನ್ನು ತಿಳಿಯುವುದು ಅಷ್ಟೇನೂ ಕಷ್ಟವಲ್ಲ.

ಈಡಿಪಸ್ ಕಾಂಪ್ಲೆಕ್ಸ್ ಅಥವಾ ತಾಯರಿಮೆಯಂತೆಯೇ ತಂದೆಯರಿಮೆಯೂ ಕೂಡಾ ಇದೆ. ಮನೋವಿಜ್ಞಾನಿ ಕಾರ್ಲ್ ಜಂಗ್ ವಿಶದಪಡಿಸಿದ ಆ ಅರಿಮೆಯಾದ ಇಲೆಕ್ಟ್ರಾ ಕಾಂಪ್ಲೆಕ್ಸಿಗೂ ಒಂದು ಕತೆಯಿದೆ. ಹೆಣ್ಣು ಮಗುವೊಂದು ತನ್ನ ತಂದೆಯೊಡನೆ ಆಪ್ತತೆ ಅಥವಾ ಆತ್ಮೀಯತೆಗಳಿಸಲು ತನ್ನ ತಾಯಿಯೊಂದಿಗೆ ಹೊಂದಬಹುದಾದ ಮನೋಲೈಂಗಿಕ ಸಂಘರ್ಷವನ್ನು ಇಲೆಕ್ಟ್ರಾ ಕಾಂಪ್ಲೆಕ್ಸ್ ಎಂದು ಹೆಸರಿಸುತ್ತಾರೆ.

ಗ್ರೀಕ್ ನಾಟಕಕಾರ ಸಾಫೋಕ್ಲಿಸ್ ಬರೆದ ಇಲೆಕ್ಟ್ರಾ ದುರಂತ ನಾಟಕದಲ್ಲಿ ಇಲೆಕ್ಟ್ರಾ ಓರ್ವ ರಾಜಕುಮಾರಿ. ಸೇಡು ಮತ್ತು ಹಟದ ಕಾರಣ ತನ್ನ ಸೋದರನನ್ನೇ ತನ್ನ ತಾಯಿಯ ವಿರುದ್ಧ ಪ್ರಚೋದಿಸಿ ಕೊಲ್ಲುವಂತೆ ಮಾಡುತ್ತಾಳೆ. ಅವಳಿಗೆ ಅವಳ ತಂದೆಯ ಮೇಲೆ ಪ್ರೇಮ. ನಾಟಕೀಯ ತಿರುವುಗಳಿರುವ ಇದೊಂದು ದುರಂತ ಕತೆ. ಆದರೆ ಸಾಮಾನ್ಯವಾಗಿ ತಂದೆಯ ಮೇಲಿನ ಮಗಳೊಬ್ಬಳ ಕಡುವ್ಯಾಮೋಹವನ್ನು ಸಂಕೇತಿಸಲು ಇಲೆಕ್ಟ್ರಾ ಕಾಂಪ್ಲೆಕ್ಸ್ ಎಂದು ಕರೆಯಲಾಗಿದೆ.

ಎಷ್ಟೋ ಸಲ ಮಗಳ ಅಂಟಿಕೆಯನ್ನು ತಂದೆ ಸಹಜ ಪ್ರೀತಿಯೆಂದೂ, ಮಗನ ಗಾಢವಾದ ಅವಲಂಬನವನ್ನು ತಾಯಿ ಶಿಶುಸಹಜವೆಂದೂ ಮಕ್ಕಳ ಕಡು ವ್ಯಾಮೋಹವನ್ನು ಅಥವಾ ಲೈಂಗಿಕ ಸೆಳೆತವನ್ನು ನಿರ್ಲಕ್ಷಿಸಿಬಿಡುವರು. ಒಂದು ವೇಳೆ ತಿಳಿದರೂ ಅದನ್ನು ಆಡಲಾರರು, ಕೆಲವೊಮ್ಮೆ ಮಕ್ಕಳಲ್ಲಿ ಅಂತಹುದೆಲ್ಲಾ ಇರುವುದಿಲ್ಲ, ತಾವೇ ತಪ್ಪಾಗಿ ತಿಳಿದಿರಬಹುದು ಎಂದು ಸುಮ್ಮನಾಗಿಬಿಡಬಹುದು. ಮತ್ತೂ ಕೆಲವೊಮ್ಮೆ ಇಂತದ್ದನ್ನೆಲ್ಲಾ ಹಗರಣ ಮಾಡಬಾರದು ಎಂದೂ ಸುಮ್ಮನಾಗಿಬಿಡುವರು.

ಸಮಸ್ಯೆ ಎಂದರೆ, ತಾಯಿಗೆ ತನ್ನ ಪುಟ್ಟ ಮಗನು ತನ್ನೊಡನೆ ಕಡು ವ್ಯಾಮೋಹವನ್ನು ಹೊಂದಿರುವಾಗ ಒಂದು ವೇಳೆ ತನ್ನ ಲೈಂಗಿಕ ವಾಂಛೆಯನ್ನು ತೋರಿದಾಗ, ಆ ವಿಷಯವನ್ನು ತನ್ನ ಗಂಡನಿಗೆ ತಿಳಿಸಿದರೆ ಶಿಕ್ಷಿಸಬಹುದೆಂಬ ಭಯದಿಂದ ಸುಮ್ಮನಾಗಿಬಿಡುತ್ತಾಳೆ. ಅದೇ ರೀತಿ ತಂದೆಯೂ ಕೂಡಾ, ತನ್ನೊಂದಿಗೆ ತನ್ನ ಮಗಳು ಹೊಂದಿರುವ ಸಲುಗೆಯಲ್ಲಿ ಸರಸದ ಆಸೆಯಿದೆ ಎಂದು ತಿಳಿದರೂ ಅದು ಬೇರೆ ಯಾರಿಗೂ ಗೊತ್ತಾಗಿಲ್ಲ. ನಾನೂ ಗೊತ್ತು ಮಾಡುವುದು ಬೇಡ. ಅದಕ್ಕೆ ಇಂಬು ಕೊಡದಿದ್ದರಾಯಿತು ಎಂದು ಸುಮ್ಮನಾಗಿಬಿಡುತ್ತಾನೆ.

ಏಕೆಂದರೆ ಒಂದು ವೇಳೆ ತಾಯಿಗೆ ತಿಳಿದರೆ ಅವಳು ತಮ್ಮಿಬ್ಬರ ಅನ್ಯೋನ್ಯತೆಯನ್ನು ತುಂಡರಿಸುತ್ತಾಳೆ ಎಂಬ ಭಯ ಅವನಿಗೆ. ಅವನಿಗೂ ಅವನ ಮಗಳ ಆಪ್ತತೆ ಹಿತವಾಗಿರುತ್ತದೆ. ಆದರೆ ಆ ಆಪ್ತತೆಯಲ್ಲಿ ಲೈಂಗಿಕತೆಯ ವಾಸನೆ ಕಂಡಾಗ ಅವನಿಗೆ ಇರಿಸುಮುರಿಸಾಗುತ್ತದೆ. ಇದಕ್ಕೆ ತುಂಬಾ ತಲೆಕೆಡಿಸಿಕೊಳ್ಳುವಷ್ಟಿಲ್ಲ. ಎಳೆಯ ಮಕ್ಕಳಿಗೆ ಸಮಾಜವು ಕಟ್ಟಿಕೊಟ್ಟಿರುವ ಶಿಷ್ಟ ಸಂಬಂಧಗಳ ಗುರುತು ಪರಿಚಯ ಇಲ್ಲದಿರುವುದು ಒಂದು ಕಾರಣವಾದರೆ, ಅವರು ನೈಸರ್ಗಿಕವಾಗಿ ಪಶುಗಳಂತೆ ತಮ್ಮ ಪ್ರವೃತ್ತಿಗಳನ್ನು ತೋರಿಸುತ್ತಾರೆ ಅಷ್ಟೇ. ಆದರೆ ಸಾಮಾಜಿಕ ತರಬೇತಿಗೆ ಅವರು ಒಳಪಡುತ್ತಿದ್ದಂತೆ ಸಮಾಜದಲ್ಲಿ ಸ್ಥಾಪಿತವಾಗಿರುವ ಅಥವಾ ಒಪ್ಪಿತವಾಗಿರುವ ಲೈಂಗಿಕ ನಿರೀಕ್ಷೆಗೆ ಅನುಗುಣವಾಗಿ ನಡೆಯುವ ರೂಢಿಯನ್ನು ಮಾಡಿಕೊಳ್ಳುತ್ತದೆ.

ಮೂರರಿಂದ ಆರು ವರ್ಷದವರಷ್ಟು ಸಣ್ಣ ಮಕ್ಕಳಾಗಿದ್ದಾಗಲೇ ಕಾಣುವವು ಈ ಈಡಿಪಸ್ ಮತ್ತು ಇಲೆಕ್ಟ್ರಾ ಕಾಂಪ್ಲೆಕ್ಸ್‍ಗಳು. ಈ ಎರಡೂ ಅರಿಮೆಗಳ ವಿಷಯದಲ್ಲಿ ತಂದೆ ಮತ್ತು ತಾಯಿ ಇಬ್ಬರೂ ಇದರ ಅರಿವು ಇದ್ದು ಹೊಣೆಗಾರಿಕೆಯಿಂದ ತಮಗೆ ಜೋತು ಬೀಳುವ ಮಕ್ಕಳ ಬಗ್ಗೆ ಎಚ್ಚರಿಕೆಯಿಂದ ವರ್ತಿಸಬೇಕು. ಇಲ್ಲವಾದರೆ ಭಾವನಾತ್ಮಕವಾಗಿಯೋ, ಮೋಹಪರವಶರಾಗಿಯೋ ವಿವೇಚನೆಯಿಲ್ಲದೇ ವರ್ತಿಸಿದರೆ ಮುಂದಿನ ದಿನಗಳಲ್ಲಿ ಸಂಬಂಧಗಳು ಹಳಸುತ್ತವೆ. ಎಂತೆಂತಹ ಪ್ರಸಂಗಗಳನ್ನು ಎದುರಿಸಬೇಕಾಗುವುದೆಂದು ಹೇಳಲಾಗುವುದಿಲ್ಲ.

ಸಿಗ್ಮಂಡ್ ಫ್ರಾಯ್ಡ್ ಹೇಳುವಂತೆ ಹೆಣ್ಣು ಮಗುವಿಗೆ ತನ್ನ ತಂದೆ ಇರುವ ಶಿಶ್ನವು ತನಗಿಲ್ಲವೆಂದು ಅಸೂಯೆ ಪಡುತ್ತಾಳೆಂದೂ ಅದಕ್ಕೆ ಶಿಶ್ನಾಸೂಯೆ ಎಂದೂ ಹೆಸರಿಸುತ್ತಾನೆ. ಇದೇ ಕಾರಣಕ್ಕೆ ಅವಳು ತಂದೆಯೊಡನೆ ಆತ್ಮೀಯತೆಯಿಂದ ಸಖ್ಯವನ್ನು ಬೆಳೆಸಿಕೊಳ್ಳುತ್ತಾಳೆ. ಜೊತೆಗೆ ತನ್ನ ತಂದೆ ತನ್ನ ತಾಯಿಯ ಜೊತೆಗಿನ ಸರಸ ಸಂಬಂಧವನ್ನು ಸಹಿಸಲಾರದೇ ಹೋಗುತ್ತಾಳೆ. ಕೆಲವು ಹೆಣ್ಣು ಮಕ್ಕಳಂತೂ ತಮ್ಮ ತಾಯಂದಿರಿಗೆ ಸವತಿ ಕಾಟವನ್ನೇ ಕೊಡುತ್ತಾರೆ. ಇದು ತಾತ್ಕಾಲಿಕ. ಏಕೆಂದರೆ ವಯಸ್ಸಾದಂತೆ ಅವರಿಗೆ ತಮ್ಮ ಲೈಂಗಿಕ ಗುರುತಿನ ಬಗ್ಗೆ ಸರಿಯಾದ ಅರಿಮೆ ಉಂಟಾಗುತ್ತದೆ ಮತ್ತು ಬಾಲ್ಯದಲ್ಲಿ ಅದರ ಬಗ್ಗೆ ತಮಗಿದ್ದ ಒಲವನ್ನೂ ಮತ್ತು ಗೊಂದಲವನ್ನೂ ಕ್ರಮೇಣ ಇಲ್ಲವಾಗಿಸಿಕೊಳ್ಳುತ್ತಾರೆ.ಸಮಾಜದಲ್ಲಿ ಇರುವಂತಹ ಸಾಂಪ್ರದಾಯಿಕವಾದ ಲೈಂಗಿಕ ಗುರುತುಗಳ ಹೊಣೆಗಾರಿಕೆಯನ್ನು ರೂಢಿಸಿಕೊಳ್ಳುತ್ತಾರೆ.

ಒಂದು ವೇಳೆ ಪೋಷಕರು ಮೋಹಪರವಶವಾಗಿ ಮಗುವಿನ ಶಿಶ್ನಾಸೂಯೆಯ ಅವಧಿಯಲ್ಲಿ ಮಕ್ಕಳಿಗೆ ಸ್ಪಂದಿಸಿದರೆ, ಮಗುವು ಅದರಿಂದ ಹೊರಗೆ ಬರದೇ ಹೋಗಬಹುದು. ತನ್ನ ಜೋತುಬೀಳುವಿಕೆಯನ್ನು ಗಟ್ಟಿಗೊಳಿಸಿಕೊಂಡು ಅದನ್ನೇ ತನ್ನ ಪ್ರಧಾನ ಲೈಂಗಿಕಾಸಕ್ತಿಯನ್ನಾಗಿಯೂ ಕೂಡಾ ಮುಂದುವರಿಸಿಕೊಳ್ಳಬಹುದು.ಆದರೆ ಈ ಶಿಶ್ನಾಸೂಯೆಯ ವಾದವನ್ನು ನವೀನ ಮನಶಾಸ್ತ್ರಜ್ಞರು ಒಪ್ಪುವುದಿಲ್ಲ. ಮತ್ತೆ ಕೆಲವರು ಇದು ಅವಾಸ್ತವದ ವಾದ ಎಂದು ಸಾರಾಸಗಟಾಗಿ ತಿರಸ್ಕರಿಸುತ್ತಾರೆ. ಆದರೆ, ಅಷ್ಟೂ ತಿರಸ್ಕರಿಸುವ ಬದಲು ವಿಷಯವನ್ನು ತಿಳಿದಿದ್ದು ಗಮನಿಸುವುದರಿಂದ ಮತ್ತು ಗಮನಕ್ಕೆ ಬಂದಾಗ ಪ್ರಜ್ಞೆಯಿಂದ ವರ್ತಿಸುವುದರಲ್ಲಿ ಹಾನಿಯೇನೂ ಇಲ್ಲ.

ಲೈಂಗಿಕ ವಿಷಯಗಳಲ್ಲಿ ಇರುವಂತಹ ಮಡಿವಂತಿಕೆ ಮತ್ತು ಸಾಮಾಜಿಕ ಅಪಖ್ಯಾತಿಯ ಹಿಂಜರಿಕೆಯಿಂದಾಗಿ ಬಹುಪಾಲು ಜನರು ಇಂತವನ್ನು ಒಪ್ಪುವುದಿರಲಿ, ಕೇಳಲೂ ಇಷ್ಟ ಪಡುವುದಿಲ್ಲ. ಆದರೆ ನಾನು ಕಂಡಂತಹ ಕೆಲವು ವ್ಯಕ್ತಿಗತ ಸಂಬಂಧಗಳಲ್ಲಿ ಇಂತಹ ಪ್ರಕರಣಗಳನ್ನು ಕಂಡಿದ್ದೇನೆ. ತನ್ನ ತಂದೆಯಂತಹ ಪ್ರಿಯತಮನನ್ನು ಹೆಣ್ಣು ಬಯಸುವುದು, ತನ್ನ ತಾಯಿಯ ಛಾಯೆಯನ್ನು ಪ್ರಿಯತಮೆಯಲ್ಲಿ ಗಂಡು ಬಯಸುವುದು ಕೂಡಾ ಮಾಸಿದ ಈಡಿಪಸ್ ಮತ್ತು ಇಲೆಕ್ಟ್ರಾ ಕಾಂಪ್ಲೆಕ್ಸ್‍ಗಳ ಪ್ರಭಾವಗಳೇ ಎಂದು ಅನಿಸುತ್ತದೆ.

ತಂದೆಯರಿಮೆ ಅಥವಾ ಇಲೆಕ್ಟ್ರಾ ಕಾಂಪ್ಲೆಕ್ಸ್‍ಗಳು ಸಾಮಾನ್ಯವಾಗಿ ಹೆಣ್ಣು ಮಕ್ಕಳು ತಮ್ಮ ತಾಯಿಯರ ಬಗ್ಗೆ ದೂರುತ್ತಿರುತ್ತಿರುವುದರಲ್ಲಿ ಕಾಣುತ್ತಿರುತ್ತದೆ. “ನಾನು ಏನು ಮಾಡಿದರೂ ತಪ್ಪನ್ನು ಕಂಡು ಹಿಡಿಯುತ್ತಾರೆ. ನನ್ನ ಸಾಧನೆ ಬಗ್ಗೆ ಹೆಮ್ಮೆ ಪಡುವುದಿಲ್ಲ. ಏನಾದರೂ ಕೇಳಿದರೆ ನಿಮ್ಮ ಅಪ್ಪನ್ನ ಕೇಳು ಎಂದು ವ್ಯಂಗ್ಯವಾಗಿ ಹೇಳುತ್ತಾರೆ” ಇತ್ಯಾದಿ. ಗಮನಿಸಿದವರಿಗೆ ಗೋಚರಿಸುವ ಕೆಲವು ವಿಷಯಗಳಿವೆ. ಕೆಲವು ತಾಯಂದಿರಿಗೆ ಮದುವೆಯಾದ ತನ್ನ ಮಗಳಿಗಿಂತ ಅಳಿಯನ ಮೇಲೆ ಪ್ರೀತಿ ಹೆಚ್ಚು. ಮಗಳು ಮತ್ತು ಅಳಿಯನ ನಡುವೆ ಜಗಳ ಬಂದಾಗ ಅತ್ತೆ ಅಳಿಯನ ಪಕ್ಷವಹಿಸುತ್ತಾಳೆ. “ನಾನು ಅವಳನ್ನು ಇವತ್ತು ನೋಡುತ್ತಿಲ್ಲ. ಅವಳು ಮೊದಲಿಂದಲೂ ಹಾಗೆಯೇ” ಎನ್ನುತ್ತಾಳೆ.

ಇನ್ನೂ ಕೆಲವು ಪ್ರಕರಣಗಳಲ್ಲಿ ಸೊಸೆಯಂದಿರು ವಿಧವೆ ಅತ್ತೆಯಿಂದ ಹೆಚ್ಚು ಕಿರುಕುಳಗಳನ್ನು ಅನುಭವಿಸುತ್ತಾರೆ. ಇದಕ್ಕೆ ಕಾರಣ ಬಿಡಿಸಿ ಹೇಳಬೇಕಿಲ್ಲ. ಈಡಿಪಸ್ಸೇ ಆಗಲಿ ಅಥವಾ ಇಲೆಕ್ಟ್ರಾ ಕಾಂಪ್ಲೆಕ್ಸೇ ಆಗಲಿ, ಅವು ಮಕ್ಕಳಲ್ಲಿ ಕಂಡು ಬಂದಾಗ ಅಲ್ಲಿ ಸಂಯಮ ವಹಿಸಬೇಕಾದವರು ಮತ್ತು ಪ್ರಜ್ಞಾವಂತಿಕೆಯಿಂದ ವರ್ತಿಸಬೇಕಾದವರು ಹಿರಿಯರು. ಮಕ್ಕಳಲ್ಲಿ ಅಂತಹ ಅರಿಮೆಗಳನ್ನು ಕಂಡರೆ ಅದು ಸಹಜವೂ ಮತ್ತು ನೈಸರ್ಗಿಕವೂ ಆಗಿದ್ದು ಮಾನಸಿಕವಾಗಿ ಆರೋಗ್ಯ ಕೆಟ್ಟಿರುವುದೇನಲ್ಲ.

ಆದರೆ ಹಿರಿಯರೇನಾದರೂ ಅನಾರೋಗ್ಯಕರವಾದ ಮನಸ್ಥಿತಿಯನ್ನು ಹೊಂದಿದ್ದಲ್ಲಿ ಮಗುವಿಗೆ ಸಮಸ್ಯೆಯಾಗುತ್ತದೆ. ಅದೂ ಕೂಡಾ ಅನಾರೋಗ್ಯಕರವಾದಂತಹ ಮನೋಭಾವವನ್ನು ಹೊಂದುವುದಕ್ಕೆ ಆಸ್ಪದವಾಗುತ್ತದೆ. ಯಾವಾಗಲೂ ಅಷ್ಟೇ, ಲೈಂಗಿಕ ಭಾವನೆಗಳು ಸಹಜವಾಗಿ ಮೂಡುವುದು ಆರೋಗ್ಯಕರವೇ ಆಗಿರುತ್ತದೆ. ಆದರೆ ಅದನ್ನು ವಿಕೃತಗೊಳಿಸಿಕೊಳ್ಳುವುದು ಮನುಷ್ಯನ ಅನಿಯಂತ್ರಿತ ಮನಸ್ಸಿನ ದುಡುಕಿನ ತುಡುಗುತನವೇ ಆಗಿರುತ್ತದೆ.

(ಮುಂದುವರಿಯುವುದು)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ

ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ

Published

on

ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ ಕಂಠಸಿರಿಯಿಂದ ಆರು ದಶಕಗಳಿಗೂ ಹೆಚ್ಚು ಕಾಲ ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯವನ್ನು ಗೆದ್ದಿದ್ದ ಈ ಮಹಾನ್ ಹಿನ್ನೆಲೆ ಗಾಯಕಿ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನವು ಕೇವಲ ಒಬ್ಬ ಗಾಯಕಿಯ ಅಗಲಿಕೆಯಲ್ಲ; ಭಾರತೀಯ ಸಂಗೀತ ಪರಂಪರೆಯ ಒಂದು ಮಹತ್ತರ ಯುಗದ ಅಂತ್ಯವಾಗಿದೆ.

ಸಂಗೀತವು ಭಾಷೆಯ ಎಲ್ಲೆಗಳನ್ನು ಮೀರಿ ಹೃದಯವನ್ನು ತಲುಪುವ ಮಾಧ್ಯಮ. ಆ ಸತ್ಯವನ್ನು ತಮ್ಮ ಗಾಯನದ ಮೂಲಕ ಸಾಬೀತುಪಡಿಸಿದ ಕಲಾವಿದೆ ಎಸ್. ಜಾನಕಿ. ಅವರು ಹಾಡಿದ ಸಾವಿರಾರು ಗೀತೆಗಳು ಇಂದಿಗೂ ಪ್ರೀತಿ, ವಿರಹ, ಭಕ್ತಿ, ಮಾತೃತ್ವ, ಸಂತೋಷ ಮತ್ತು ಬದುಕಿನ ಸೂಕ್ಷ್ಮ ಭಾವನೆಗಳಿಗೆ ಧ್ವನಿಯಾಗಿವೆ. ಅವರ ಕಂಠ ಕೇಳಿದ ಕ್ಷಣವೇ ಹಾಡಿನ ಪಾತ್ರ ಜೀವಂತವಾಗಿ ಕಣ್ಣೆದುರು ಮೂಡುತ್ತಿತ್ತು. ಅದೇ ಅವರ ಗಾಯನದ ಮಹತ್ವ.

ಸಾಮಾನ್ಯ ಕುಟುಂಬದಿಂದ ಸಂಗೀತ ಸಾಮ್ರಾಜ್ಯದವರೆಗೆ

1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ಸಮೀಪ ಜನಿಸಿದ ಜಾನಕಿ, ಬಾಲ್ಯದಿಂದಲೇ ಸಂಗೀತದತ್ತ ಅತೀವ ಆಸಕ್ತಿ ಹೊಂದಿದ್ದರು. ಮನೆಯಲ್ಲಿದ್ದ ಸಂಗೀತದ ವಾತಾವರಣವೇ ಅವರ ಪ್ರತಿಭೆಗೆ ಮೊದಲ ಪ್ರೇರಣೆ. ಸಂಪ್ರದಾಯಬದ್ಧ ಸಂಗೀತ ಶಿಕ್ಷಣ ಸೀಮಿತವಾಗಿದ್ದರೂ, ದೇವರು ನೀಡಿದ ಸಹಜ ಕಂಠವೇ ಅವರನ್ನು ಅಪರೂಪದ ಗಾಯಕಿಯನ್ನಾಗಿ ರೂಪಿಸಿತು.

ಕುಟುಂಬದ ಬೆಂಬಲದೊಂದಿಗೆ ಅವರು ಆಗಿನ ಮದ್ರಾಸಿಗೆ ತೆರಳಿ ಹಿನ್ನೆಲೆ ಗಾಯನದಲ್ಲಿ ಅವಕಾಶ ಹುಡುಕಿದರು. ಆರಂಭದ ದಿನಗಳು ಸುಲಭವಾಗಿರಲಿಲ್ಲ. ಆದರೆ ಪ್ರತಿಭೆ, ಶ್ರಮ ಮತ್ತು ಸಂಗೀತದ ಮೇಲಿನ ಅಚಲ ನಿಷ್ಠೆ ಅವರನ್ನು ಬೇಗನೇ ಸಂಗೀತ ನಿರ್ದೇಶಕರ ಗಮನಕ್ಕೆ ತಂದಿತು. 1957ರಲ್ಲಿ ಆರಂಭವಾದ ಅವರ ಗಾಯನಯಾನ, ನಂತರ ಭಾರತದ ಸಂಗೀತ ಇತಿಹಾಸದಲ್ಲೇ ಅತ್ಯಂತ ದೀರ್ಘ ಹಾಗೂ ಯಶಸ್ವಿ ಪಯಣಗಳಲ್ಲಿ ಒಂದಾಗಿ ಬೆಳೆಯಿತು.

ಭಾಷೆಗಳ ಗಡಿಗಳನ್ನು ಮೀರಿ ಮೊಳಗಿದ ಧ್ವನಿ

ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ, ಒಡಿಯಾ, ತುಳು, ಕೊಂಕಣಿ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ಅವರು ಸಾವಿರಾರು ಹಾಡುಗಳನ್ನು ಹಾಡಿದರು. ವಿವಿಧ ಮೂಲಗಳ ಪ್ರಕಾರ ಅವರು 40 ಸಾವಿರಕ್ಕೂ ಅಧಿಕ ಗೀತೆಗಳಿಗೆ ಧ್ವನಿಯಾಗಿದ್ದಾರೆ.

ಪ್ರತಿ ಭಾಷೆಯ ಉಚ್ಚಾರಣೆಯನ್ನು ಅತ್ಯಂತ ಶ್ರದ್ಧೆಯಿಂದ ಕಲಿತು, ಆ ಭಾಷೆಯವರೇ ಹಾಡಿದಂತೆ ಹಾಡುವುದು ಅವರ ವಿಶೇಷತೆ. ಅದಕ್ಕಾಗಿಯೇ ಅವರು ಹಾಡಿದ ಗೀತೆಗಳನ್ನು ಯಾವ ರಾಜ್ಯದ ಜನರೂ ತಮ್ಮದೇ ಭಾಷೆಯ ಹಾಡುಗಳೆಂದು ಪ್ರೀತಿಸಿದರು. ಒಬ್ಬ ಗಾಯಕಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ.

ಕನ್ನಡಿಗರ ಮನದ ಜಾನಕಿ

ಕರ್ನಾಟಕದ ಸಂಗೀತಾಸಕ್ತರಿಗೆ ಎಸ್. ಜಾನಕಿ ಎಂದರೆ ವಿಶೇಷವಾದ ಭಾವನಾತ್ಮಕ ಬಂಧ. ಕನ್ನಡ ಚಿತ್ರರಂಗದ ಸುವರ್ಣಯುಗದ ನೂರಾರು ಅಮರಗೀತೆಗಳಿಗೆ ಅವರು ಜೀವ ತುಂಬಿದ್ದಾರೆ.

ಡಾ. ರಾಜ್‌ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್, ಅನಂತ್ ನಾಗ್, ರಮೇಶ್ ಅರವಿಂದ್ ಸೇರಿದಂತೆ ಹಲವು ತಲೆಮಾರಿನ ನಟ–ನಟಿಯರ ಭಾವನೆಗಳಿಗೆ ಅವರ ಧ್ವನಿಯೇ ಆತ್ಮವಾಗಿತ್ತು.

ವಿಜಯಭಾಸ್ಕರ್, ಜಿ.ಕೆ. ವೆಂಕಟೇಶ್, ರಾಜನ್–ನಾಗೇಂದ್ರ, ಉಪೇಂದ್ರ ಕುಮಾರ್, ಹಂಸಲೇಖ ಸೇರಿದಂತೆ ಕನ್ನಡದ ಶ್ರೇಷ್ಠ ಸಂಗೀತ ನಿರ್ದೇಶಕರೊಂದಿಗೆ ಅವರು ನೀಡಿದ ಹಾಡುಗಳು ಇಂದಿಗೂ ಸಂಗೀತಾಸಕ್ತರ ತುಟಿಗಳಲ್ಲಿ ಜೀವಂತವಾಗಿವೆ.

ಪ್ರೇಮಗೀತೆಗಳಾಗಲಿ, ಭಕ್ತಿಗೀತೆಗಳಾಗಲಿ, ಜಾನಪದ ಸೊಗಡಿನ ಹಾಡುಗಳಾಗಲಿ ಅಥವಾ ವಿರಹದ ಮೌನವನ್ನು ಹೇಳುವ ಮಧುರಗೀತೆಗಳಾಗಲಿ—ಜಾನಕಿ ಅವರ ಧ್ವನಿ ಪ್ರತಿಯೊಂದು ಭಾವಕ್ಕೂ ಹೊಸ ಅರ್ಥ ನೀಡುತ್ತಿತ್ತು.

ಇಳಯರಾಜಾ–ಜಾನಕಿ: ಸಂಗೀತದ ಅದ್ಭುತ ಜೋಡಿ

ತಮಿಳು ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕ ಇಳಯರಾಜಾ ಮತ್ತು ಎಸ್. ಜಾನಕಿ ಅವರ ಸಂಗಮ ಭಾರತೀಯ ಚಿತ್ರಸಂಗೀತದ ಅತ್ಯಂತ ಯಶಸ್ವಿ ಜೋಡಿಗಳಲ್ಲಿ ಒಂದು.

ಇಳಯರಾಜಾ ಅವರ ಸಂಗೀತದ ಸೂಕ್ಷ್ಮ ಭಾವಗಳನ್ನು ಜಾನಕಿ ತಮ್ಮ ಧ್ವನಿಯಲ್ಲಿ ಜೀವಂತಗೊಳಿಸುತ್ತಿದ್ದರು. ಈ ಜೋಡಿಯ ಅನೇಕ ಗೀತೆಗಳು ಇಂದಿಗೂ ದಕ್ಷಿಣ ಭಾರತದ ಸಂಗೀತಾಭಿಮಾನಿಗಳ ನಿತ್ಯ ಸಂಗಾತಿಗಳಾಗಿವೆ.

ಅದೇ ರೀತಿ ಎಂ.ಎಸ್. ವಿಶ್ವನಾಥನ್, ಕೆ.ವಿ. ಮಹಾದೇವನ್, ಚಕ್ರವರ್ತಿ, ಹಂಸಲೇಖ, ರಾಜನ್–ನಾಗೇಂದ್ರ, ವಿಜಯಭಾಸ್ಕರ್ ಮೊದಲಾದ ದಿಗ್ಗಜರ ಸಂಗೀತಕ್ಕೂ ಅವರು ವಿಶಿಷ್ಟ ಕಂಠಸಿರಿ ನೀಡಿದ್ದಾರೆ.

ಧ್ವನಿಯೊಳಗಿದ್ದ ಸಾವಿರ ರೂಪಗಳು

ಎಸ್. ಜಾನಕಿ ಅವರ ಗಾಯನದ ಅತ್ಯಂತ ದೊಡ್ಡ ವೈಶಿಷ್ಟ್ಯವೆಂದರೆ ಧ್ವನಿಯ ರೂಪಾಂತರ. ಒಂದು ಹಾಡಿನಲ್ಲಿ ಮಗು ಮಾತನಾಡಿದಂತೆ ಹಾಡಬಲ್ಲರು; ಮತ್ತೊಂದು ಹಾಡಿನಲ್ಲಿ ವಯಸ್ಸಾದ ಮಹಿಳೆಯ ಭಾವನೆ ಮೂಡಿಸುತ್ತಿದ್ದರು. ಕೆಲವೊಮ್ಮೆ ಗ್ರಾಮೀಣ ಹುಡುಗಿಯ ಮುಗ್ಧತೆ, ಮತ್ತೊಮ್ಮೆ ನಗರ ಮಹಿಳೆಯ ಆತ್ಮವಿಶ್ವಾಸ, ಇನ್ನೊಮ್ಮೆ ತಾಯಿಯ ಮಮತೆ, ಮತ್ತೆ ಭಕ್ತೆಯ ಪ್ರಾರ್ಥನೆ—ಪ್ರತಿ ಭಾವಕ್ಕೂ ಬೇರೆ ಧ್ವನಿಯನ್ನು ನೀಡುವ ಸಾಮರ್ಥ್ಯ ಅವರಿಗೆ ಮಾತ್ರ ಸಾಧ್ಯವಾಗಿತ್ತು. ಅವರ ಧ್ವನಿ ಕೇವಲ ಸಂಗೀತವಲ್ಲ; ಅದು ಅಭಿನಯವೂ ಆಗಿತ್ತು.

ಶ್ರಮ, ಶಿಸ್ತು ಮತ್ತು ಪರಿಪೂರ್ಣತೆಯ ಪ್ರತೀಕ

ಒಂದು ಹಾಡನ್ನು ಹಾಡುವ ಮೊದಲು ಅದರ ಸಾಹಿತ್ಯವನ್ನು ಸಂಪೂರ್ಣ ಅರ್ಥೈಸಿಕೊಳ್ಳುವುದು ಅವರ ಅಭ್ಯಾಸ. ಉಚ್ಚಾರಣೆಯಲ್ಲಿ ಯಾವುದೇ ತಪ್ಪು ಆಗಬಾರದು ಎಂಬ ಕಾರಣಕ್ಕೆ ಹೊಸ ಭಾಷೆಗಳನ್ನು ಸಹ ಕಲಿಯುತ್ತಿದ್ದರು.

ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಸಮಯಪಾಲನೆ, ಶಿಸ್ತು ಹಾಗೂ ಸಂಗೀತದ ಮೇಲಿನ ಅಪಾರ ಗೌರವದಿಂದ ಅವರು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.

ಸಂಗೀತ ನಿರ್ದೇಶಕರು ಅನೇಕ ಬಾರಿ ಹೇಳಿದ್ದೇನಂದರೆ, ಜಾನಕಿ ಹಾಡನ್ನು ಒಮ್ಮೆ ಅರ್ಥ ಮಾಡಿಕೊಂಡರೆ ಅದನ್ನು ಮತ್ತೆ ವಿವರಿಸುವ ಅಗತ್ಯವೇ ಇರಲಿಲ್ಲ.

ಪ್ರಶಸ್ತಿಗಳಿಗಿಂತ ದೊಡ್ಡದು ಜನರ ಪ್ರೀತಿ

ಎಸ್. ಜಾನಕಿ ಅವರು ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ವಿವಿಧ ರಾಜ್ಯ ಸರ್ಕಾರಗಳಿಂದ ಮೂವತ್ತಕ್ಕೂ ಅಧಿಕ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿಗಳು ಅವರಿಗೆ ಸಂದಿವೆ. ಆದರೆ ಅವರು ಎಂದಿಗೂ ಪ್ರಶಸ್ತಿಗಳಿಗಾಗಿ ಹಾಡಲಿಲ್ಲ. ಸಂಗೀತವೇ ಅವರ ಧ್ಯಾನ, ಗಾಯನವೇ ಅವರ ಪೂಜೆ.

ಪದ್ಮಭೂಷಣ ಪ್ರಶಸ್ತಿಯನ್ನು ಅವರು ವಿನಯಪೂರ್ವಕವಾಗಿ ನಿರಾಕರಿಸಿದ್ದು ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು. ತಮ್ಮ ಸಾಧನೆಗೆ ತಡವಾಗಿ ಗೌರವ ನೀಡಲಾಗಿದೆ ಎಂಬ ಭಾವನೆಯನ್ನು ಅವರು ಅತ್ಯಂತ ಗೌರವಯುತವಾಗಿ ವ್ಯಕ್ತಪಡಿಸಿದ್ದರು.

ಎಸ್.ಪಿ.ಬಿ.–ಜಾನಕಿ: ಮರೆಯಲಾಗದ ಸಂಗೀತಯಾನ

ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಎಸ್. ಜಾನಕಿ ಅವರ ಜೋಡಿ ಭಾರತೀಯ ಚಿತ್ರಸಂಗೀತದ ಅತ್ಯಂತ ಜನಪ್ರಿಯ ಗಾಯನ ಜೋಡಿಗಳಲ್ಲಿ ಒಂದು.

ಅವರಿಬ್ಬರು ಹಾಡಿದ ಸಾವಿರಾರು ಯುಗಲಗೀತೆಗಳು ಇಂದಿಗೂ ರೇಡಿಯೋಗಳಲ್ಲಿ, ಸಂಗೀತ ಕಾರ್ಯಕ್ರಮಗಳಲ್ಲಿ ಮತ್ತು ಅಭಿಮಾನಿಗಳ ನೆನಪುಗಳಲ್ಲಿ ಸದಾ ಕೇಳಿಸುತ್ತಿವೆ.ಇವರ ಗಾಯನದಲ್ಲಿ ಸ್ಪರ್ಧೆಯಿರಲಿಲ್ಲ; ಪರಸ್ಪರ ಪೂರಕವಾದ ಸಂಗೀತ ಮಾತ್ರ ಇತ್ತು.

ಸರಳತೆಯೇ ಅವರ ಅಲಂಕಾರ

ಅಸಂಖ್ಯಾತ ಪ್ರಶಸ್ತಿಗಳು, ಲಕ್ಷಾಂತರ ಅಭಿಮಾನಿಗಳು, ದೇಶವ್ಯಾಪಿ ಖ್ಯಾತಿ—ಇವೆಲ್ಲ ಇದ್ದರೂ ಎಸ್. ಜಾನಕಿ ಅತ್ಯಂತ ಸರಳ ಜೀವನ ನಡೆಸಿದರು.ವೇದಿಕೆಯಲ್ಲಿ ಎಂದಿಗೂ ಆಡಂಬರ ತೋರಲಿಲ್ಲ. ಸಂದರ್ಶನಗಳಲ್ಲಿಯೂ ತಮ್ಮ ಸಾಧನೆಗಿಂತ ಸಂಗೀತದ ಮಹತ್ವದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರು.ಹೊಸ ಗಾಯಕರಿಗೆ ಪ್ರೋತ್ಸಾಹ ನೀಡುವುದು, ಅವರನ್ನು ಮೆಚ್ಚುವುದು ಮತ್ತು ಸಂಗೀತವನ್ನು ಗೌರವಿಸುವಂತೆ ಸಲಹೆ ನೀಡುವುದು ಅವರ ಸ್ವಭಾವವಾಗಿತ್ತು.

ಹೊಸ ತಲೆಮಾರಿನಲ್ಲೂ ಜೀವಂತ ಧ್ವನಿ

ಡಿಜಿಟಲ್ ಸಂಗೀತದ ಯುಗದಲ್ಲಿಯೂ ಎಸ್. ಜಾನಕಿ ಅವರ ಹಾಡುಗಳ ಜನಪ್ರಿಯತೆ ಕಡಿಮೆಯಾಗಲಿಲ್ಲ. ಯೂಟ್ಯೂಬ್, ಸಂಗೀತ ಆ್ಯಪ್‌ಗಳು, ರಿಯಾಲಿಟಿ ಶೋಗಳು, ಸಾಮಾಜಿಕ ಜಾಲತಾಣಗಳು—ಎಲ್ಲೆಡೆ ಅವರ ಹಾಡುಗಳು ಹೊಸ ತಲೆಮಾರಿನ ಕಿವಿಗಳಿಗೆ ತಲುಪುತ್ತಲೇ ಇವೆ. ಇಂದಿನ ಅನೇಕ ಯುವ ಗಾಯಕ–ಗಾಯಕಿಯರು ತಮ್ಮ ಸಂಗೀತಯಾನದ ಪ್ರೇರಣೆಯಾಗಿ ಜಾನಕಿ ಅವರನ್ನು ಉಲ್ಲೇಖಿಸುತ್ತಾರೆ.

ಸಂಗೀತ ಲೋಕದ ಕಂಬನಿ

ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ದೇಶದಾದ್ಯಂತ ಸಂಗೀತ ಲೋಕದಲ್ಲಿ ಶೋಕದ ಛಾಯೆ ಆವರಿಸಿತು. ಚಿತ್ರರಂಗದ ಗಣ್ಯರು, ಸಂಗೀತ ನಿರ್ದೇಶಕರು, ಗಾಯಕ–ಗಾಯಕಿಯರು, ಸಾಹಿತ್ಯಿಕರು, ರಾಜಕೀಯ ನಾಯಕರು ಹಾಗೂ ಲಕ್ಷಾಂತರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಭಾವಪೂರ್ಣ ನಮನ ಸಲ್ಲಿಸಿದರು.

“ಒಂದು ಯುಗ ಮುಗಿಯಿತು”, “ಗಾನಕೋಗಿಲೆಯ ಧ್ವನಿ ಎಂದೆಂದಿಗೂ ಜೀವಂತ”, “ನಮ್ಮ ಜೀವನದ ನೆನಪುಗಳಿಗೆ ಹಿನ್ನೆಲೆ ಸಂಗೀತ ನೀಡಿದ ಧ್ವನಿ” ಎಂಬ ಮಾತುಗಳು ಎಲ್ಲೆಡೆ ಕೇಳಿಬಂದವು.

ಕನ್ನಡಿಗರ ನೆನಪಿನಲ್ಲಿ ಎಂದೆಂದಿಗೂ

ಕರ್ನಾಟಕದ ಮನೆಮನೆಗಳಲ್ಲೂ ಎಸ್. ಜಾನಕಿ ಅವರ ಹಾಡುಗಳು ಇಂದಿಗೂ ಬೆಳಗಿನ ಭಕ್ತಿಗೀತೆಗಳಾಗಿ, ಪ್ರೇಮಗೀತೆಗಳಾಗಿ, ಹಬ್ಬದ ಸಂಭ್ರಮವಾಗಿ, ಬದುಕಿನ ನೆನಪುಗಳಾಗಿ ಮೊಳಗುತ್ತಿವೆ.

ಅವರ ಧ್ವನಿ ಅನೇಕ ಕುಟುಂಬಗಳ ಭಾವನೆಗಳ ಒಂದು ಭಾಗವಾಗಿದೆ. ತಾಯಿಯ ನೆನಪಿನಲ್ಲಿ, ಪ್ರೀತಿಯ ನೆನಪಿನಲ್ಲಿ, ಬಾಲ್ಯದ ನೆನಪಿನಲ್ಲಿ, ಹಬ್ಬದ ಸಂಭ್ರಮದಲ್ಲಿ—ಎಲ್ಲೆಲ್ಲೂ ಜಾನಕಿ ಅವರ ಹಾಡುಗಳಿವೆ.

ಸ್ವರ ಮೌನವಾದರೂ…

ಕಾಲ ಬದಲಾಗಬಹುದು. ಸಂಗೀತದ ಶೈಲಿಗಳು ಬದಲಾಗಬಹುದು. ಹೊಸ ತಂತ್ರಜ್ಞಾನಗಳು ಬರಬಹುದು. ಆದರೆ ಭಾವನೆಗೆ ಜೀವ ತುಂಬುವ ಧ್ವನಿಗಳು ಅಪರೂಪ.

ಎಸ್. ಜಾನಕಿ ಅಂತಹ ಅಪರೂಪದ ಧ್ವನಿ. ಅವರ ದೇಹ ನಮ್ಮೊಂದಿಗಿಲ್ಲ. ಆದರೆ ಅವರು ಹಾಡಿದ ಪ್ರತಿಯೊಂದು ಗೀತೆ ಮುಂದಿನ ಹಲವು ತಲೆಮಾರುಗಳಿಗೂ ಬದುಕಿನ ಸಂಗಾತಿಯಾಗಿರುತ್ತದೆ. ಸಂಗೀತ ಇತಿಹಾಸವನ್ನು ಬರೆಯುವಾಗ ಅವರ ಹೆಸರನ್ನು ಬಿಟ್ಟು ಮುಂದೆ ಸಾಗುವುದು ಅಸಾಧ್ಯ. ಮರಣವು ಒಬ್ಬ ವ್ಯಕ್ತಿಯನ್ನು ಮಾತ್ರ ಕಸಿದುಕೊಳ್ಳಬಹುದು; ಅವರು ಸೃಷ್ಟಿಸಿದ ಕಲೆಯನ್ನು ಅಲ್ಲ.

ಎಸ್. ಜಾನಕಿ ಅವರ ಸ್ವರ ಇಂದು ಮೌನವಾಗಿದೆ. ಆದರೆ ಅವರು ಹಾಡಿದ ಸಾವಿರಾರು ಗೀತೆಗಳು ಭಾರತೀಯ ಸಂಗೀತಾಕಾಶದಲ್ಲಿ ಶಾಶ್ವತವಾಗಿ ಪ್ರತಿಧ್ವನಿಸುತ್ತಲೇ ಇರುತ್ತವೆ.
ಅವರ ಕಂಠಸಿರಿ ಕಾಲವನ್ನು ಮೀರಿದೆ.
ಅವರ ಸಂಗೀತ ತಲೆಮಾರುಗಳನ್ನು ಮೀರಿದೆ.
ಅವರ ನೆನಪು ಎಂದಿಗೂ ಅಳಿಯದು.

ಸ್ವರ ಮೌನವಾಗಿದೆ… ಆದರೆ ಸಂಗೀತ ಅಮರವಾಗಿದೆ. ಅದೇ ಎಸ್. ಜಾನಕಿ ಅವರ ಶಾಶ್ವತ ಪರಂಪರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ಕವಿತೆ | ದೇವರ ಹೂವು

Published

on

~ ಡಾ. ಸಿ.ಬಿ.ಐನಳ್ಳಿ

ಊಟ ಮಾಟ ವೇಷ ಭಾಷೆ
ಪ್ರಾರ್ಥನೆ ಬೇರೆ ಬೇರೆ
ಪವಿತ್ರಪಠ್ಯ ಅವನದೊಂದು
ನನ್ನದಿನ್ನೊಂದಂತೆ

ನದಿ ದಂಡೆಯ ಮೇಲೆ
ನೋಟ ಬೆರೆತು ಮಾತು ಮರೆತು
ಮೈತ್ರಿ ಮೊಳೆಯಿತು
ಎಷ್ಟು ಬಿಗಿದಪ್ಪಿಕೊಂಡರೂ
ಉಳಿಯುತ್ತಿತ್ತು ನಡುವೆ ಸಣ್ಣ ಪೊಳ್ದಾಣ

ಹೂದೋಟದ ದುಂಬಿ ಸತತ ಮೂರು
ವಸಂತದ ಗಾಳಿ ಅಣಕಿಸಿದಾಗ
ಪರಾಗಸ್ಪರ್ಶಕೆ ಹೊಸ ಹೂವೊಂದು
ಅರಳಿ ನಿಂತಿತು
ಪೊಳ್ಳಿನ ನೆನಪೇ ಮಾಯವಾಗಿದೆ

ಎಳೆ ಹೂವು ಮೈಮರೆತು
ಹಾಡಿ ಓಡಿ ನಲಿಯುತಿದೆ
ಧರ್ಮ ನನ್ನ ಕಣ್ಣೊಳಗೆ ಜಿನುಗಿ
ಹನಿಯಾಗಿ ಜಾರುತಿದೆ

ಕವಿ ಪರಿಚಯ : ಡಾ. ಸಿ.ಬಿ.ಐನಳ್ಳಿ, ಸಹಾಯಕ ಪ್ರಾಧ್ಯಾಪಕರು, ಇಂಗ್ಲೀಷ್ ವಿಭಾಗ, ಕರ್ನಾಟಕ ಕಲಾ ಮಹಾವಿದ್ಯಾಲಯ, ಧಾರವಾಡ

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

Trending