ಅಂತರಂಗ
ಅರಿಮೆಯ ಅರಿವಿರಲಿ-36 : ಸಮಾಜಘಾತುಕತನದ ಮೊಳಕೆ
- ಯೋಗೇಶ್ ಮಾಸ್ಟರ್
ಸಾಮಾನ್ಯವಾಗಿ ಮಗುವು ತನ್ನ ಓರಗೆಯವರ ಸಹವಾಸದ ಸೆಳೆತದಿಂದ ತಾನೇ ಕೆಲವು ಕೆಲಸಗಳಲ್ಲಿ ತೊಡಗಿಕೊಳ್ಳುವ ಉತ್ಸಾಹ ತೋರಿಸುತ್ತದೆ. ಶಾಲೆಯಲ್ಲಿ ತನ್ನ ಪಕ್ಕದಲ್ಲಿ ಯಾವಾಗಲೂ ಕುಳಿತುಕೊಳ್ಳುವ ಹುಡುಗನ ಜೊತೆಗಿನ ಸಂಬಂಧ ಆ ಮಗುವಿಗೆ ಆಪ್ತವೂ, ಆತ್ಮೀಯವೂ ಆಗಿರುತ್ತದೆ. ಮೈದಾನದಲ್ಲಿ ಆಡುವ ಗೆಳೆಯನ ಅಥವಾ ಗೆಳತಿಯ ಜೊತೆಗಾರಿಕೆ ಮಗುವಿಗೆ ಖುಷಿ ಕೊಡುತ್ತದೆ. ಒಟ್ಟಿಗೆ ಕುಳಿತುಕೊಂಡು ತರಗತಿಯಲ್ಲಿ ಕಲಿಯುವ, ಮೈದಾನದಲ್ಲಿ ಕಲೆಯುವ ಆಚೆಗೂ ಅವರಿಗೆ ಹಂಚಿಕೊಳ್ಳಲು ವಿಷಯಗಳಿರುತ್ತವೆ, ವಸ್ತುಗಳಿರುತ್ತವೆ, ಸ್ಥಳಗಳಿರುತ್ತವೆ. ಆದರೆ ಪೋಷಕರಿಗೆ ಮಗುವು ಶಾಲೆಗೆ ಹೋಗುವುದು ಎಂದರೆ ಓದುವುದಕ್ಕಷ್ಟೇ ಎಂಬ ಧೋರಣೆ.
ಹೆಚ್ಚೆಂದರೆ ಶಾಲೆಯವರು ಏರ್ಪಡಿಸುವ ಕಾರ್ಯಕ್ರಮಗಳಲ್ಲಿ, ಕ್ರೀಡೆಗಳಲ್ಲಿ ಭಾಗವಹಿಸುವುದು. ಅದನ್ನು ಬಿಟ್ಟರೆ ಹೆಚ್ಚಿಗೇನೂ ಮಾಡುವ ಅಗತ್ಯವಿಲ್ಲ! ಆದರೆ ಮಕ್ಕಳಿಗೆ ಕೆಲವರ ಬಗ್ಗೆ ಆತ್ಮೀಯತೆ, ಸಲುಗೆ ಇರುತ್ತದೆ. ಅದನ್ನು ಪೋಷಕರ ಬಳಿ ಹೇಳಿಕೊಳ್ಳುವುದಕ್ಕೆ ಅವರಿಗೆ ಅಷ್ಟೇನೂ ಅವಕಾಶಗಳಿರುವುದಿಲ್ಲ. ಹೇಳುವವರು ಬಹಳ ಕಡಿಮೆ. ಹಾಗಾಗಿ ಕೆಲವರ ಮನೆಯಲ್ಲಿ ಕೆಲವೊಂದು ಮಾತುಗಳು ಧ್ವನಿಸುತ್ತಿರುತ್ತವೆ.
- ಅವನ / ಅವಳ ಜೊತೆ ನೀನ್ಯಾಕೆ ಹೋಗಿದ್ದೆ. ಅದರಿಂದ ನಿನಗೇನು ಲಾಭ?
- ಅವನಿಗೆ / ಅವಳಿಗೆ ಬೇಕಾದರೆ ಅವನೇ / ಅವಳೇ ಮಾಡಿಕೊಳ್ಳಲಿ. ನಿನ್ನ ಕೆಲಸ ನೀನು ನೋಡಿಕೋ.
- ಅವರದು ಇವರದು ಕತೆಗಳನ್ನೆಲ್ಲಾ ನನಗೆ ಹೇಳಬೇಡ. ನಿಂದೆಷ್ಟೋ ಅಷ್ಟು ನೋಡಿಕೋ.
- ನಿನಗ್ಯಾಕೆ ಊರವರ ಉಸಾಬರಿ?
- ನೀನು ಸ್ಕೂಲಿಗೆ ಹೋಗೋದು ಯಾಕೆ? ನೆಟ್ಟಗೆ ಸ್ಕೂಲಿಗೆ ಹೋಗಿ ಮನೆಗೆ ಬಾ.
- ಯಾರ್ಯಾರು ಹ್ಯಾಗ್ಯಾಗೆ ಇರ್ತಾರೋ ಏನೋ. ಸುಮ್ಮನೆ ಅವರಿವರ ಸಹವಾಸದಲ್ಲಿ ಬಿದ್ದು ಹಾಳಾಗಬೇಡ.
- ಎಷ್ಟುಬೇಕೋ ಅಷ್ಟು ಇಟ್ಟಿಕೊ. ಅತಿಯಾಗಿ ಹೋಗಬೇಡ.
ಇತ್ಯಾದಿ ಅತಿ ಮತ್ತು ಮಿತಿಗಳನ್ನು ಪೋಷಕರು ನಿರ್ಧರಿಸುತ್ತಿರುತ್ತಾರೆ. ವಾಸ್ತವವಾಗಿ ಅವರು ತಮ್ಮ ಬಾಲ್ಯವನ್ನು ಮರೆತಿರುತ್ತಾರೆ. ಅವರಿಗೂ ಇಂತಹ ಆತ್ಮೀಯತೆಯ ಸೆಳೆತಗಳಿದ್ದವು. ಆಪ್ತತೆಯ ಸ್ಪರ್ಶಕ್ಕೆ ಹಾತೊರೆಯುತ್ತಿದ್ದರು. ಅವರ ಮನೆಯಲ್ಲೂ ಅವರ ಅಪ್ಪ ಅಥವಾ ಅಮ್ಮ ಹೀಗೆ ಹೇಳುತ್ತಿದ್ದರು. ಅವರಿಗಾಗ ಬೇಸರವಾಗುತ್ತಿತ್ತು. ಆದರೆ ಮನೆಯವರ ಒತ್ತಡಕ್ಕೆ ಸಿಕ್ಕಿ ಅವರು ಹೇಳಿದಂತೆ ಕೇಳುವ ಅನಿವಾರ್ಯತೆ ಉಂಟಾಗಿರುತ್ತಿತ್ತು. ಅದೇ ಅವರ ಮಕ್ಕಳಿಗೂ ಮುಂದುವರಿಯುತ್ತದೆ. ಇದನ್ನೇ ಪದೇ ಪದೇ ಕೇಳುತ್ತಾ, ಅನಿವಾರ್ಯವಾಗಿ ರೂಢಿಸಿಕೊಳ್ಳುವ ಮಕ್ಕಳು ಊರಿನ ಉಸಾಬರಿ ಏಕೆ ಹೊರುತ್ತಾರೆ? ಸಮಾಜ ಮತ್ತು ಪರಿಸರದ ಬಗ್ಗೆ ಹೇಗೆ ಕಾಳಜಿ ಹೊಂದುತ್ತಾರೆ?
ಮನೆಯಿಂದ ಸಮಾಜಕ್ಕೆ
- ಒಂದು ದೇಶದ ಅಪರಾಧದ ಚಟುವಟಿಕೆಗಳು ಅನೇಕ ಅಂಶಗಳನ್ನು ಅವಲಂಬಿಸಿರುತ್ತದೆ. ಆದರೆ ಸಾಮಾನ್ಯವಾಗಿ ದೇಶದ ಕಾನೂನು ಮತ್ತು ಪೋಲಿಸ್ ವ್ಯವಸ್ಥೆಯು ಸದೃಢವಾಗಿಲ್ಲ ಅಥವಾ ಸಮರ್ಪಕವಾಗಿಲ್ಲ ಎಂಬುದನ್ನು ಮೊದಲನೆಯದಾಗಿ ಕಾಣಿಸುತ್ತಾರೆ. ಆದರೆ ನಮ್ಮ ದೇಶದ ಕಾನೂನು ಮತ್ತು ರಕ್ಷಣಾವ್ಯವಸ್ಥೆಯಲ್ಲಿ ನಾವ್ಯಾರೂ ಸಮಗ್ರವಾಗಿ ಮೌಲ್ಯ ಮಾಪನ ಮಾಡಿ ಇದು ಹೀಗೆ ಎಂದು ನಿರ್ಧರಿತವಾಗಿ ಫಲಿತಾಂಶವನ್ನು ಹೇಳಲಾಗುವುದೇ ಇಲ್ಲ.
- ಏಕೆಂದರೆ ಇಡೀ ದೇಶದಲ್ಲಿ ವ್ಯವಸ್ಥೆಯ ಹೊರಗೂ ಮತ್ತು ಒಳಗೂ ಎಲ್ಲಾ ತರಹದ ಜನರಿದ್ದಾರೆ. ಕಾನೂನು ಪಾಲಕರೇ ಅಥವಾ ಕಾನೂನು ರಕ್ಷಕರೇ ಶಿಕ್ಷೆಗೆ ಒಳಪಡದಂತಹ ಅಪರಾಧಿಗಳಾಗಿರುತ್ತಾರೆ. ಅದೇ ರೀತಿ ವ್ಯವಸ್ಥೆಯ ಹೊರಗಿರುವ ಸಾಮಾನ್ಯ ನಾಗರಿಕ ವ್ಯಾಪ್ತಿಗೆ ಬರುವ ಜನರಲ್ಲೂ ಕೂಡಾ ಅಪರಾಧಿಗಳು ಇದ್ದಾರೆ.
- ಗುಂಪು ಗಲಭೆಗಳಾದಾಗ ಬಸ್ಸಿಗೆ ಬೆಂಕಿ ಹಚ್ಚುವವರು, ಅಂಗಡಿಗಳಿಗೆ ಕಲ್ಲು ಹೊಡೆಯುವವರು, ಸಾರ್ವಜನಿಕ ಆಸ್ತಿಪಾಸ್ತಿಯನ್ನು ಹಾಳುಗೆಡವುವವರು ಜವಾಬ್ದಾರಿಯುತ ಹುದ್ದೆಗಳಲ್ಲಿ, ಕೆಲಸಗಳಲ್ಲಿ ಇರುವವರಲ್ಲ. ತಮ್ಮ ಸಂಪಾದನೆಯಲ್ಲಿ ತೆರಿಗೆ ಕಟ್ಟುವವರಂತೂ ಅಲ್ಲವೇ ಅಲ್ಲ. ಅದೊಂದು ವರ್ಗ. ಅದರಲ್ಲಿ ಜಾತಿ, ಧರ್ಮ, ಸಂಸ್ಕೃತಿಯ ಬೇಧವಿಲ್ಲ. ಕೆಲವೊಮ್ಮೆ ವಯಸ್ಸಿನ ಬೇಧವೂ ಇರುವುದಿಲ್ಲ. ಅದೊಂದು ವೈಯಕ್ತಿಕ ಮನಸ್ಥಿತಿ ಮತ್ತು ಸಾಮಾಜಿಕ ಪರಿಸ್ಥಿತಿಯಲ್ಲಿರುವವರೇ ಹಾಗೆ ಮಾಡುವವರು. ಅಂತಹ ಕೆಲಸಗಳಿಗೆ ತಮ್ಮ ಸಮಯ, ಶ್ರಮವನ್ನು ವ್ಯಯಿಸುವವರು. ಇದು ಹೇಗೆ ಮತ್ತು ಏಕೆ? ಹೇಗೆ ಎಂಬುದರ ಕಾರಣ ತಿಳಿದರೆ ಏಕೆ ಎಂಬುದೂ ಕೂಡಾ ತಿಳಿಯುತ್ತದೆ.
- ಸಾಮಾನ್ಯವಾದ ನೈತಿಕತೆ ಎಲ್ಲಾ ಜನಸಾಮಾನ್ಯರಲ್ಲಿ ಸಾಮಾನ್ಯವಾಗಿಲ್ಲ.
- ಇತರರ ಕಂಡು ಅಸೂಯೆ, ಅಸಹನೆ ಉಂಟಾಗದೇ ತನ್ನ ಬದುಕಿನ ಆನಂದ, ಅನುಭವ, ಸುಖವನ್ನು ಪಡುವಷ್ಟು ಆರ್ಥಿಕ ಸಬಲತೆ ಮತ್ತು ಅರಿವಿನ ಹಿನ್ನೆಲೆ ಎಲ್ಲರಲ್ಲೂ ಇಲ್ಲ.
- ತನ್ನ ಸಾಧಿಸಬೇಕಾದ ಗುರಿ ಮತ್ತು ತನ್ನದೇ ಕುಟುಂಬದ ಜವಾಬ್ದಾರಿಯೂ ಇಲ್ಲ.
- ಕಾನೂನಾತ್ಮಕವಾಗಿ ಕಳಂಕಿತವಾದರೆ ಕಳೆದುಕೊಳ್ಳುವಂತಹುದೇನಿರುವುದಿಲ್ಲ. (ಉದ್ಯೋಗ, ಹುದ್ದೆ, ಸ್ಥಾನ, ಧನ ಇತ್ಯಾದಿ)
- ತಮ್ಮ ಸೀಮಿತ ಪರಿಧಿಯಾಚೆಗಿನ ವಿಷಯಗಳ ಅರಿವೂ ಇರುವುದಿಲ್ಲ ಮತ್ತು ಅವರಿಗೆ ಜಾಗತಿಕ ಮಟ್ಟಕ್ಕೆ ಹೋಗುವುದಿರಲಿ ಹಾಗೊಂದು ಇದೆ ಎಂಬ ಅರಿವೂ ಇರುವುದಿಲ್ಲ.
- ತಮ್ಮಂತದ್ದೇ ಮನಸ್ಥಿತಿಯ ಕಾನೂನು ಪಾಲಕರು ಅಥವಾ ರಕ್ಷಕರ ಅಪವಿತ್ರ ಮೈತ್ರಿಗಳಿರುತ್ತವೆ. ಉದಾಹರಣೆಗೆ ಕಳ್ಳ ದಂಧೆಗಳಲ್ಲಿ ಇವರ ಭಾಗವಹಿಸುವಿಕೆ ವ್ಯವಸ್ಥೆಯಲ್ಲಿರುವವರಿಗೆ ಬೇಕಾಗಿರುತ್ತದೆ. ಅವರು ಮಾಡಲಾಗದ ರಹಸ್ಯ ಕಾರ್ಯಾಚರಣೆಗಳಲ್ಲಿ ಇವರು ಕೆಲಸ ಮಾಡಬೇಕಾಗುತ್ತದೆ. ಅಂದರೆ ಅವರ ಕೈಗಳಿಗೆ ಕಳಂಕ ಹತ್ತದಿರಲು ಇವರ ಕೈಗಳನ್ನು ಅವರು ಬಳಸಿಕೊಳ್ಳುತ್ತಾರೆ. ಹಾಗೆಯೇ ಇವರನ್ನು ರಕ್ಷಿಸುವ ಒಡಂಬಡಿಕೆಯೂ ಕೂಡ ಅವರ ನಡುವೆ ಆಗಿರುತ್ತದೆ. ಈ ಹಿಂದೆ ನಡೆದ ಸಣ್ಣಪುಟ್ಟ ಅಪರಾಧಗಳಲ್ಲಿ, ಗಲಾಟೆಗಳಲ್ಲಿ ಯಶಸ್ವಿಯಾಗಿರುತ್ತಾರೆ. ಇವರೇ ಯಾವಾಗಲೂ ಸಮಸ್ಯೆಗಳಲ್ಲಿ ಇರುವ ಕಾರಣದಿಂದ ಇತರರಿಗೆ ಸಮಸ್ಯೆಗಳಾಗುವುದರ ಬಗ್ಗೆ ಕಾಳಜಿ ಇರುವುದಿಲ್ಲ. ಇವರಿಗೆ ಕೊರತೆಗಳಿರುವುದರಿಂದ ಇತರರ ಬಗ್ಗೆ ಯಾವ ವಿಷಯದಲ್ಲಿಯೂ ಔದಾರ್ಯವಿರುವುದಿಲ್ಲ.
- ಕೆಲವು ಅಧ್ಯಯನಗಳು ಹೊರಗೆಡವಿದಂತೆ ತಂದೆಯಿಂದ ತಿರಸ್ಕೃತರಾದಂತಹ ಮಗುವು ಅಥವಾ ಸಣ್ಣ ಕುಟುಂಬವು ಅದರ ಇತರ ಪೋಷಕ ಕುಟುಂಬಗಳಿಂದ ತಿರಸ್ಕೃತರಾಗಿದ್ದರೆ, ಘೋಷಿತವಾಗಿ ಅಥವಾ ಅಘೋಷಿತವಾಗಿ ಸಾಮಾಜಿಕವಾಗಿ ಅಥವಾ ಕೌಟುಂಬಿಕವಾಗಿ ಬಹಿಷ್ಕೃತರಾಗಿದ್ದರೆ, ಆ ಕುಟುಂಬದ ಮಗುವು ಒಂದೋ ಕ್ರೌರ್ಯ ಮತ್ತು ಹಿಂಸೆಯ ಮನೋಭಾವವನ್ನು ರೂಢಿಸಿಕೊಂಡು ಸಮಾಜಘಾತುಕ ಶಕ್ತಿಯಾಗಿ ಬೆಳೆಯುತ್ತದೆ, ಇಲ್ಲವೇ ಖಿನ್ನತೆಯಿಂದ ತನ್ನದೇ ವ್ಯಸನದ ಪ್ರಪಂಚದಲ್ಲಿ ತಲ್ಲೀನವಾಗಿರುತ್ತದೆ. ಇದು ತಕ್ಷಣಕ್ಕೆ ಕಾಣಲು ಪ್ಯಾಸಿವ್ ಅಥವಾ ಜಡವಾಗಿದೆ ಎನಿಸಿದರೂ ಅದು ಯಾವುದೇ ಸಮಯಕ್ಕೆ ಘಾತುಕ ಶಕ್ತಿಯಾಗಿ ಸ್ಫೋಟಗೊಳ್ಳುತ್ತದೆ.
- ಪುನರಾವರ್ತಿತವಾಗುವಂತಹ ಒಂದೇ ಬಗೆಯ ಪರಿಸ್ಥಿತಿ, ಸನ್ನಿವೇಶ ಮತ್ತು ಪರಿಸರಗಳನ್ನು ನೋಡುತ್ತಿರುವುದರಿಂದ ಮನಸ್ಥಿತಿಯೇ ಆ ರೀತಿ ನಿರ್ಮಿತವಾಗಿರುತ್ತದೆ. ಹಾಗೆ ಇರುವುದು ತಮಗೆ ಸಹಜವೇನೋ ಎಂಬಂತೆ ಯೋಚನೆ ಕೂಡಾ ಮಾಡದಿರುವಷ್ಟು ರೂಢಿಯಾಗಿಬಿಟ್ಟಿರುತ್ತದೆ.
ಇಷ್ಟೇ ಅಲ್ಲ. ಪರಿಸರ ಮತ್ತು ಕುಟುಂಬಗಳು ಯಾವುದೇ ಇರಲಿ ಕೆಲವೊಂದು ಬಗೆಯ ಬೇರೆಯೇ ಕಾರಣಗಳು ಕೂಡಾ ಇರುತ್ತವೆ. ಆರ್ಥಿಕವಾಗಿ, ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಶ್ರೇಣಿಯಲ್ಲಿ ಕೆಳಗಿರುವವರೇ ಸಮಾಜಘಾತುಕರಾಗುವರು ಎಂಬ ಆತುರದ ನಿರ್ಧಾರ ಬೇಡ. ಈ ಸಂಕೀರ್ಣ ಸಮಾಜಕ್ಕೆ ಇನ್ನೂ ಬೇರೆ ಬೇರೆ ಮೂಲದ ತಲೆನೋವುಗಳಿವೆ.
(ಮುಂದುವರಿಯುವುದು)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ
ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ ಕಂಠಸಿರಿಯಿಂದ ಆರು ದಶಕಗಳಿಗೂ ಹೆಚ್ಚು ಕಾಲ ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯವನ್ನು ಗೆದ್ದಿದ್ದ ಈ ಮಹಾನ್ ಹಿನ್ನೆಲೆ ಗಾಯಕಿ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನವು ಕೇವಲ ಒಬ್ಬ ಗಾಯಕಿಯ ಅಗಲಿಕೆಯಲ್ಲ; ಭಾರತೀಯ ಸಂಗೀತ ಪರಂಪರೆಯ ಒಂದು ಮಹತ್ತರ ಯುಗದ ಅಂತ್ಯವಾಗಿದೆ.
ಸಂಗೀತವು ಭಾಷೆಯ ಎಲ್ಲೆಗಳನ್ನು ಮೀರಿ ಹೃದಯವನ್ನು ತಲುಪುವ ಮಾಧ್ಯಮ. ಆ ಸತ್ಯವನ್ನು ತಮ್ಮ ಗಾಯನದ ಮೂಲಕ ಸಾಬೀತುಪಡಿಸಿದ ಕಲಾವಿದೆ ಎಸ್. ಜಾನಕಿ. ಅವರು ಹಾಡಿದ ಸಾವಿರಾರು ಗೀತೆಗಳು ಇಂದಿಗೂ ಪ್ರೀತಿ, ವಿರಹ, ಭಕ್ತಿ, ಮಾತೃತ್ವ, ಸಂತೋಷ ಮತ್ತು ಬದುಕಿನ ಸೂಕ್ಷ್ಮ ಭಾವನೆಗಳಿಗೆ ಧ್ವನಿಯಾಗಿವೆ. ಅವರ ಕಂಠ ಕೇಳಿದ ಕ್ಷಣವೇ ಹಾಡಿನ ಪಾತ್ರ ಜೀವಂತವಾಗಿ ಕಣ್ಣೆದುರು ಮೂಡುತ್ತಿತ್ತು. ಅದೇ ಅವರ ಗಾಯನದ ಮಹತ್ವ.
ಸಾಮಾನ್ಯ ಕುಟುಂಬದಿಂದ ಸಂಗೀತ ಸಾಮ್ರಾಜ್ಯದವರೆಗೆ
1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ಸಮೀಪ ಜನಿಸಿದ ಜಾನಕಿ, ಬಾಲ್ಯದಿಂದಲೇ ಸಂಗೀತದತ್ತ ಅತೀವ ಆಸಕ್ತಿ ಹೊಂದಿದ್ದರು. ಮನೆಯಲ್ಲಿದ್ದ ಸಂಗೀತದ ವಾತಾವರಣವೇ ಅವರ ಪ್ರತಿಭೆಗೆ ಮೊದಲ ಪ್ರೇರಣೆ. ಸಂಪ್ರದಾಯಬದ್ಧ ಸಂಗೀತ ಶಿಕ್ಷಣ ಸೀಮಿತವಾಗಿದ್ದರೂ, ದೇವರು ನೀಡಿದ ಸಹಜ ಕಂಠವೇ ಅವರನ್ನು ಅಪರೂಪದ ಗಾಯಕಿಯನ್ನಾಗಿ ರೂಪಿಸಿತು.
ಕುಟುಂಬದ ಬೆಂಬಲದೊಂದಿಗೆ ಅವರು ಆಗಿನ ಮದ್ರಾಸಿಗೆ ತೆರಳಿ ಹಿನ್ನೆಲೆ ಗಾಯನದಲ್ಲಿ ಅವಕಾಶ ಹುಡುಕಿದರು. ಆರಂಭದ ದಿನಗಳು ಸುಲಭವಾಗಿರಲಿಲ್ಲ. ಆದರೆ ಪ್ರತಿಭೆ, ಶ್ರಮ ಮತ್ತು ಸಂಗೀತದ ಮೇಲಿನ ಅಚಲ ನಿಷ್ಠೆ ಅವರನ್ನು ಬೇಗನೇ ಸಂಗೀತ ನಿರ್ದೇಶಕರ ಗಮನಕ್ಕೆ ತಂದಿತು. 1957ರಲ್ಲಿ ಆರಂಭವಾದ ಅವರ ಗಾಯನಯಾನ, ನಂತರ ಭಾರತದ ಸಂಗೀತ ಇತಿಹಾಸದಲ್ಲೇ ಅತ್ಯಂತ ದೀರ್ಘ ಹಾಗೂ ಯಶಸ್ವಿ ಪಯಣಗಳಲ್ಲಿ ಒಂದಾಗಿ ಬೆಳೆಯಿತು.
ಭಾಷೆಗಳ ಗಡಿಗಳನ್ನು ಮೀರಿ ಮೊಳಗಿದ ಧ್ವನಿ
ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ, ಒಡಿಯಾ, ತುಳು, ಕೊಂಕಣಿ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ಅವರು ಸಾವಿರಾರು ಹಾಡುಗಳನ್ನು ಹಾಡಿದರು. ವಿವಿಧ ಮೂಲಗಳ ಪ್ರಕಾರ ಅವರು 40 ಸಾವಿರಕ್ಕೂ ಅಧಿಕ ಗೀತೆಗಳಿಗೆ ಧ್ವನಿಯಾಗಿದ್ದಾರೆ.
ಪ್ರತಿ ಭಾಷೆಯ ಉಚ್ಚಾರಣೆಯನ್ನು ಅತ್ಯಂತ ಶ್ರದ್ಧೆಯಿಂದ ಕಲಿತು, ಆ ಭಾಷೆಯವರೇ ಹಾಡಿದಂತೆ ಹಾಡುವುದು ಅವರ ವಿಶೇಷತೆ. ಅದಕ್ಕಾಗಿಯೇ ಅವರು ಹಾಡಿದ ಗೀತೆಗಳನ್ನು ಯಾವ ರಾಜ್ಯದ ಜನರೂ ತಮ್ಮದೇ ಭಾಷೆಯ ಹಾಡುಗಳೆಂದು ಪ್ರೀತಿಸಿದರು. ಒಬ್ಬ ಗಾಯಕಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ.
ಕನ್ನಡಿಗರ ಮನದ ಜಾನಕಿ
ಕರ್ನಾಟಕದ ಸಂಗೀತಾಸಕ್ತರಿಗೆ ಎಸ್. ಜಾನಕಿ ಎಂದರೆ ವಿಶೇಷವಾದ ಭಾವನಾತ್ಮಕ ಬಂಧ. ಕನ್ನಡ ಚಿತ್ರರಂಗದ ಸುವರ್ಣಯುಗದ ನೂರಾರು ಅಮರಗೀತೆಗಳಿಗೆ ಅವರು ಜೀವ ತುಂಬಿದ್ದಾರೆ.
ಡಾ. ರಾಜ್ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್, ಅನಂತ್ ನಾಗ್, ರಮೇಶ್ ಅರವಿಂದ್ ಸೇರಿದಂತೆ ಹಲವು ತಲೆಮಾರಿನ ನಟ–ನಟಿಯರ ಭಾವನೆಗಳಿಗೆ ಅವರ ಧ್ವನಿಯೇ ಆತ್ಮವಾಗಿತ್ತು.
ವಿಜಯಭಾಸ್ಕರ್, ಜಿ.ಕೆ. ವೆಂಕಟೇಶ್, ರಾಜನ್–ನಾಗೇಂದ್ರ, ಉಪೇಂದ್ರ ಕುಮಾರ್, ಹಂಸಲೇಖ ಸೇರಿದಂತೆ ಕನ್ನಡದ ಶ್ರೇಷ್ಠ ಸಂಗೀತ ನಿರ್ದೇಶಕರೊಂದಿಗೆ ಅವರು ನೀಡಿದ ಹಾಡುಗಳು ಇಂದಿಗೂ ಸಂಗೀತಾಸಕ್ತರ ತುಟಿಗಳಲ್ಲಿ ಜೀವಂತವಾಗಿವೆ.
ಪ್ರೇಮಗೀತೆಗಳಾಗಲಿ, ಭಕ್ತಿಗೀತೆಗಳಾಗಲಿ, ಜಾನಪದ ಸೊಗಡಿನ ಹಾಡುಗಳಾಗಲಿ ಅಥವಾ ವಿರಹದ ಮೌನವನ್ನು ಹೇಳುವ ಮಧುರಗೀತೆಗಳಾಗಲಿ—ಜಾನಕಿ ಅವರ ಧ್ವನಿ ಪ್ರತಿಯೊಂದು ಭಾವಕ್ಕೂ ಹೊಸ ಅರ್ಥ ನೀಡುತ್ತಿತ್ತು.
ಇಳಯರಾಜಾ–ಜಾನಕಿ: ಸಂಗೀತದ ಅದ್ಭುತ ಜೋಡಿ
ತಮಿಳು ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕ ಇಳಯರಾಜಾ ಮತ್ತು ಎಸ್. ಜಾನಕಿ ಅವರ ಸಂಗಮ ಭಾರತೀಯ ಚಿತ್ರಸಂಗೀತದ ಅತ್ಯಂತ ಯಶಸ್ವಿ ಜೋಡಿಗಳಲ್ಲಿ ಒಂದು.
ಇಳಯರಾಜಾ ಅವರ ಸಂಗೀತದ ಸೂಕ್ಷ್ಮ ಭಾವಗಳನ್ನು ಜಾನಕಿ ತಮ್ಮ ಧ್ವನಿಯಲ್ಲಿ ಜೀವಂತಗೊಳಿಸುತ್ತಿದ್ದರು. ಈ ಜೋಡಿಯ ಅನೇಕ ಗೀತೆಗಳು ಇಂದಿಗೂ ದಕ್ಷಿಣ ಭಾರತದ ಸಂಗೀತಾಭಿಮಾನಿಗಳ ನಿತ್ಯ ಸಂಗಾತಿಗಳಾಗಿವೆ.
ಅದೇ ರೀತಿ ಎಂ.ಎಸ್. ವಿಶ್ವನಾಥನ್, ಕೆ.ವಿ. ಮಹಾದೇವನ್, ಚಕ್ರವರ್ತಿ, ಹಂಸಲೇಖ, ರಾಜನ್–ನಾಗೇಂದ್ರ, ವಿಜಯಭಾಸ್ಕರ್ ಮೊದಲಾದ ದಿಗ್ಗಜರ ಸಂಗೀತಕ್ಕೂ ಅವರು ವಿಶಿಷ್ಟ ಕಂಠಸಿರಿ ನೀಡಿದ್ದಾರೆ.
ಧ್ವನಿಯೊಳಗಿದ್ದ ಸಾವಿರ ರೂಪಗಳು
ಎಸ್. ಜಾನಕಿ ಅವರ ಗಾಯನದ ಅತ್ಯಂತ ದೊಡ್ಡ ವೈಶಿಷ್ಟ್ಯವೆಂದರೆ ಧ್ವನಿಯ ರೂಪಾಂತರ. ಒಂದು ಹಾಡಿನಲ್ಲಿ ಮಗು ಮಾತನಾಡಿದಂತೆ ಹಾಡಬಲ್ಲರು; ಮತ್ತೊಂದು ಹಾಡಿನಲ್ಲಿ ವಯಸ್ಸಾದ ಮಹಿಳೆಯ ಭಾವನೆ ಮೂಡಿಸುತ್ತಿದ್ದರು. ಕೆಲವೊಮ್ಮೆ ಗ್ರಾಮೀಣ ಹುಡುಗಿಯ ಮುಗ್ಧತೆ, ಮತ್ತೊಮ್ಮೆ ನಗರ ಮಹಿಳೆಯ ಆತ್ಮವಿಶ್ವಾಸ, ಇನ್ನೊಮ್ಮೆ ತಾಯಿಯ ಮಮತೆ, ಮತ್ತೆ ಭಕ್ತೆಯ ಪ್ರಾರ್ಥನೆ—ಪ್ರತಿ ಭಾವಕ್ಕೂ ಬೇರೆ ಧ್ವನಿಯನ್ನು ನೀಡುವ ಸಾಮರ್ಥ್ಯ ಅವರಿಗೆ ಮಾತ್ರ ಸಾಧ್ಯವಾಗಿತ್ತು. ಅವರ ಧ್ವನಿ ಕೇವಲ ಸಂಗೀತವಲ್ಲ; ಅದು ಅಭಿನಯವೂ ಆಗಿತ್ತು.
ಶ್ರಮ, ಶಿಸ್ತು ಮತ್ತು ಪರಿಪೂರ್ಣತೆಯ ಪ್ರತೀಕ
ಒಂದು ಹಾಡನ್ನು ಹಾಡುವ ಮೊದಲು ಅದರ ಸಾಹಿತ್ಯವನ್ನು ಸಂಪೂರ್ಣ ಅರ್ಥೈಸಿಕೊಳ್ಳುವುದು ಅವರ ಅಭ್ಯಾಸ. ಉಚ್ಚಾರಣೆಯಲ್ಲಿ ಯಾವುದೇ ತಪ್ಪು ಆಗಬಾರದು ಎಂಬ ಕಾರಣಕ್ಕೆ ಹೊಸ ಭಾಷೆಗಳನ್ನು ಸಹ ಕಲಿಯುತ್ತಿದ್ದರು.
ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಸಮಯಪಾಲನೆ, ಶಿಸ್ತು ಹಾಗೂ ಸಂಗೀತದ ಮೇಲಿನ ಅಪಾರ ಗೌರವದಿಂದ ಅವರು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.
ಸಂಗೀತ ನಿರ್ದೇಶಕರು ಅನೇಕ ಬಾರಿ ಹೇಳಿದ್ದೇನಂದರೆ, ಜಾನಕಿ ಹಾಡನ್ನು ಒಮ್ಮೆ ಅರ್ಥ ಮಾಡಿಕೊಂಡರೆ ಅದನ್ನು ಮತ್ತೆ ವಿವರಿಸುವ ಅಗತ್ಯವೇ ಇರಲಿಲ್ಲ.
ಪ್ರಶಸ್ತಿಗಳಿಗಿಂತ ದೊಡ್ಡದು ಜನರ ಪ್ರೀತಿ
ಎಸ್. ಜಾನಕಿ ಅವರು ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ವಿವಿಧ ರಾಜ್ಯ ಸರ್ಕಾರಗಳಿಂದ ಮೂವತ್ತಕ್ಕೂ ಅಧಿಕ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿಗಳು ಅವರಿಗೆ ಸಂದಿವೆ. ಆದರೆ ಅವರು ಎಂದಿಗೂ ಪ್ರಶಸ್ತಿಗಳಿಗಾಗಿ ಹಾಡಲಿಲ್ಲ. ಸಂಗೀತವೇ ಅವರ ಧ್ಯಾನ, ಗಾಯನವೇ ಅವರ ಪೂಜೆ.
ಪದ್ಮಭೂಷಣ ಪ್ರಶಸ್ತಿಯನ್ನು ಅವರು ವಿನಯಪೂರ್ವಕವಾಗಿ ನಿರಾಕರಿಸಿದ್ದು ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು. ತಮ್ಮ ಸಾಧನೆಗೆ ತಡವಾಗಿ ಗೌರವ ನೀಡಲಾಗಿದೆ ಎಂಬ ಭಾವನೆಯನ್ನು ಅವರು ಅತ್ಯಂತ ಗೌರವಯುತವಾಗಿ ವ್ಯಕ್ತಪಡಿಸಿದ್ದರು.
ಎಸ್.ಪಿ.ಬಿ.–ಜಾನಕಿ: ಮರೆಯಲಾಗದ ಸಂಗೀತಯಾನ
ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಎಸ್. ಜಾನಕಿ ಅವರ ಜೋಡಿ ಭಾರತೀಯ ಚಿತ್ರಸಂಗೀತದ ಅತ್ಯಂತ ಜನಪ್ರಿಯ ಗಾಯನ ಜೋಡಿಗಳಲ್ಲಿ ಒಂದು.
ಅವರಿಬ್ಬರು ಹಾಡಿದ ಸಾವಿರಾರು ಯುಗಲಗೀತೆಗಳು ಇಂದಿಗೂ ರೇಡಿಯೋಗಳಲ್ಲಿ, ಸಂಗೀತ ಕಾರ್ಯಕ್ರಮಗಳಲ್ಲಿ ಮತ್ತು ಅಭಿಮಾನಿಗಳ ನೆನಪುಗಳಲ್ಲಿ ಸದಾ ಕೇಳಿಸುತ್ತಿವೆ.ಇವರ ಗಾಯನದಲ್ಲಿ ಸ್ಪರ್ಧೆಯಿರಲಿಲ್ಲ; ಪರಸ್ಪರ ಪೂರಕವಾದ ಸಂಗೀತ ಮಾತ್ರ ಇತ್ತು.
ಸರಳತೆಯೇ ಅವರ ಅಲಂಕಾರ
ಅಸಂಖ್ಯಾತ ಪ್ರಶಸ್ತಿಗಳು, ಲಕ್ಷಾಂತರ ಅಭಿಮಾನಿಗಳು, ದೇಶವ್ಯಾಪಿ ಖ್ಯಾತಿ—ಇವೆಲ್ಲ ಇದ್ದರೂ ಎಸ್. ಜಾನಕಿ ಅತ್ಯಂತ ಸರಳ ಜೀವನ ನಡೆಸಿದರು.ವೇದಿಕೆಯಲ್ಲಿ ಎಂದಿಗೂ ಆಡಂಬರ ತೋರಲಿಲ್ಲ. ಸಂದರ್ಶನಗಳಲ್ಲಿಯೂ ತಮ್ಮ ಸಾಧನೆಗಿಂತ ಸಂಗೀತದ ಮಹತ್ವದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರು.ಹೊಸ ಗಾಯಕರಿಗೆ ಪ್ರೋತ್ಸಾಹ ನೀಡುವುದು, ಅವರನ್ನು ಮೆಚ್ಚುವುದು ಮತ್ತು ಸಂಗೀತವನ್ನು ಗೌರವಿಸುವಂತೆ ಸಲಹೆ ನೀಡುವುದು ಅವರ ಸ್ವಭಾವವಾಗಿತ್ತು.
ಹೊಸ ತಲೆಮಾರಿನಲ್ಲೂ ಜೀವಂತ ಧ್ವನಿ
ಡಿಜಿಟಲ್ ಸಂಗೀತದ ಯುಗದಲ್ಲಿಯೂ ಎಸ್. ಜಾನಕಿ ಅವರ ಹಾಡುಗಳ ಜನಪ್ರಿಯತೆ ಕಡಿಮೆಯಾಗಲಿಲ್ಲ. ಯೂಟ್ಯೂಬ್, ಸಂಗೀತ ಆ್ಯಪ್ಗಳು, ರಿಯಾಲಿಟಿ ಶೋಗಳು, ಸಾಮಾಜಿಕ ಜಾಲತಾಣಗಳು—ಎಲ್ಲೆಡೆ ಅವರ ಹಾಡುಗಳು ಹೊಸ ತಲೆಮಾರಿನ ಕಿವಿಗಳಿಗೆ ತಲುಪುತ್ತಲೇ ಇವೆ. ಇಂದಿನ ಅನೇಕ ಯುವ ಗಾಯಕ–ಗಾಯಕಿಯರು ತಮ್ಮ ಸಂಗೀತಯಾನದ ಪ್ರೇರಣೆಯಾಗಿ ಜಾನಕಿ ಅವರನ್ನು ಉಲ್ಲೇಖಿಸುತ್ತಾರೆ.
ಸಂಗೀತ ಲೋಕದ ಕಂಬನಿ
ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ದೇಶದಾದ್ಯಂತ ಸಂಗೀತ ಲೋಕದಲ್ಲಿ ಶೋಕದ ಛಾಯೆ ಆವರಿಸಿತು. ಚಿತ್ರರಂಗದ ಗಣ್ಯರು, ಸಂಗೀತ ನಿರ್ದೇಶಕರು, ಗಾಯಕ–ಗಾಯಕಿಯರು, ಸಾಹಿತ್ಯಿಕರು, ರಾಜಕೀಯ ನಾಯಕರು ಹಾಗೂ ಲಕ್ಷಾಂತರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಭಾವಪೂರ್ಣ ನಮನ ಸಲ್ಲಿಸಿದರು.
“ಒಂದು ಯುಗ ಮುಗಿಯಿತು”, “ಗಾನಕೋಗಿಲೆಯ ಧ್ವನಿ ಎಂದೆಂದಿಗೂ ಜೀವಂತ”, “ನಮ್ಮ ಜೀವನದ ನೆನಪುಗಳಿಗೆ ಹಿನ್ನೆಲೆ ಸಂಗೀತ ನೀಡಿದ ಧ್ವನಿ” ಎಂಬ ಮಾತುಗಳು ಎಲ್ಲೆಡೆ ಕೇಳಿಬಂದವು.
ಕನ್ನಡಿಗರ ನೆನಪಿನಲ್ಲಿ ಎಂದೆಂದಿಗೂ
ಕರ್ನಾಟಕದ ಮನೆಮನೆಗಳಲ್ಲೂ ಎಸ್. ಜಾನಕಿ ಅವರ ಹಾಡುಗಳು ಇಂದಿಗೂ ಬೆಳಗಿನ ಭಕ್ತಿಗೀತೆಗಳಾಗಿ, ಪ್ರೇಮಗೀತೆಗಳಾಗಿ, ಹಬ್ಬದ ಸಂಭ್ರಮವಾಗಿ, ಬದುಕಿನ ನೆನಪುಗಳಾಗಿ ಮೊಳಗುತ್ತಿವೆ.
ಅವರ ಧ್ವನಿ ಅನೇಕ ಕುಟುಂಬಗಳ ಭಾವನೆಗಳ ಒಂದು ಭಾಗವಾಗಿದೆ. ತಾಯಿಯ ನೆನಪಿನಲ್ಲಿ, ಪ್ರೀತಿಯ ನೆನಪಿನಲ್ಲಿ, ಬಾಲ್ಯದ ನೆನಪಿನಲ್ಲಿ, ಹಬ್ಬದ ಸಂಭ್ರಮದಲ್ಲಿ—ಎಲ್ಲೆಲ್ಲೂ ಜಾನಕಿ ಅವರ ಹಾಡುಗಳಿವೆ.
ಸ್ವರ ಮೌನವಾದರೂ…
ಕಾಲ ಬದಲಾಗಬಹುದು. ಸಂಗೀತದ ಶೈಲಿಗಳು ಬದಲಾಗಬಹುದು. ಹೊಸ ತಂತ್ರಜ್ಞಾನಗಳು ಬರಬಹುದು. ಆದರೆ ಭಾವನೆಗೆ ಜೀವ ತುಂಬುವ ಧ್ವನಿಗಳು ಅಪರೂಪ.
ಎಸ್. ಜಾನಕಿ ಅಂತಹ ಅಪರೂಪದ ಧ್ವನಿ. ಅವರ ದೇಹ ನಮ್ಮೊಂದಿಗಿಲ್ಲ. ಆದರೆ ಅವರು ಹಾಡಿದ ಪ್ರತಿಯೊಂದು ಗೀತೆ ಮುಂದಿನ ಹಲವು ತಲೆಮಾರುಗಳಿಗೂ ಬದುಕಿನ ಸಂಗಾತಿಯಾಗಿರುತ್ತದೆ. ಸಂಗೀತ ಇತಿಹಾಸವನ್ನು ಬರೆಯುವಾಗ ಅವರ ಹೆಸರನ್ನು ಬಿಟ್ಟು ಮುಂದೆ ಸಾಗುವುದು ಅಸಾಧ್ಯ. ಮರಣವು ಒಬ್ಬ ವ್ಯಕ್ತಿಯನ್ನು ಮಾತ್ರ ಕಸಿದುಕೊಳ್ಳಬಹುದು; ಅವರು ಸೃಷ್ಟಿಸಿದ ಕಲೆಯನ್ನು ಅಲ್ಲ.
ಎಸ್. ಜಾನಕಿ ಅವರ ಸ್ವರ ಇಂದು ಮೌನವಾಗಿದೆ. ಆದರೆ ಅವರು ಹಾಡಿದ ಸಾವಿರಾರು ಗೀತೆಗಳು ಭಾರತೀಯ ಸಂಗೀತಾಕಾಶದಲ್ಲಿ ಶಾಶ್ವತವಾಗಿ ಪ್ರತಿಧ್ವನಿಸುತ್ತಲೇ ಇರುತ್ತವೆ.
ಅವರ ಕಂಠಸಿರಿ ಕಾಲವನ್ನು ಮೀರಿದೆ.
ಅವರ ಸಂಗೀತ ತಲೆಮಾರುಗಳನ್ನು ಮೀರಿದೆ.
ಅವರ ನೆನಪು ಎಂದಿಗೂ ಅಳಿಯದು.
ಸ್ವರ ಮೌನವಾಗಿದೆ… ಆದರೆ ಸಂಗೀತ ಅಮರವಾಗಿದೆ. ಅದೇ ಎಸ್. ಜಾನಕಿ ಅವರ ಶಾಶ್ವತ ಪರಂಪರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಕವಿತೆ | ದೇವರ ಹೂವು
~ ಡಾ. ಸಿ.ಬಿ.ಐನಳ್ಳಿ
ಊಟ ಮಾಟ ವೇಷ ಭಾಷೆ
ಪ್ರಾರ್ಥನೆ ಬೇರೆ ಬೇರೆ
ಪವಿತ್ರಪಠ್ಯ ಅವನದೊಂದು
ನನ್ನದಿನ್ನೊಂದಂತೆ
ನದಿ ದಂಡೆಯ ಮೇಲೆ
ನೋಟ ಬೆರೆತು ಮಾತು ಮರೆತು
ಮೈತ್ರಿ ಮೊಳೆಯಿತು
ಎಷ್ಟು ಬಿಗಿದಪ್ಪಿಕೊಂಡರೂ
ಉಳಿಯುತ್ತಿತ್ತು ನಡುವೆ ಸಣ್ಣ ಪೊಳ್ದಾಣ
ಹೂದೋಟದ ದುಂಬಿ ಸತತ ಮೂರು
ವಸಂತದ ಗಾಳಿ ಅಣಕಿಸಿದಾಗ
ಪರಾಗಸ್ಪರ್ಶಕೆ ಹೊಸ ಹೂವೊಂದು
ಅರಳಿ ನಿಂತಿತು
ಪೊಳ್ಳಿನ ನೆನಪೇ ಮಾಯವಾಗಿದೆ
ಎಳೆ ಹೂವು ಮೈಮರೆತು
ಹಾಡಿ ಓಡಿ ನಲಿಯುತಿದೆ
ಧರ್ಮ ನನ್ನ ಕಣ್ಣೊಳಗೆ ಜಿನುಗಿ
ಹನಿಯಾಗಿ ಜಾರುತಿದೆ
ಕವಿ ಪರಿಚಯ : ಡಾ. ಸಿ.ಬಿ.ಐನಳ್ಳಿ, ಸಹಾಯಕ ಪ್ರಾಧ್ಯಾಪಕರು, ಇಂಗ್ಲೀಷ್ ವಿಭಾಗ, ಕರ್ನಾಟಕ ಕಲಾ ಮಹಾವಿದ್ಯಾಲಯ, ಧಾರವಾಡ
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂಕಣ6 days agoಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ
-
ದಿನದ ಸುದ್ದಿ5 days agoಮಾಜಿ ರಾಜ್ಯಸಭಾ ಸದಸ್ಯ ಹೆಚ್ ಹನುಮಂತಪ್ಪ ನಿಧನ
-
ದಿನದ ಸುದ್ದಿ3 days agoಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕ ರಾಜೇಶ್ಗೌಡ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ3 days agoಎಸ್.ಐ.ಆರ್ ಮತದಾರರ ಪಟ್ಟಿಯ ಡಿಜಿಟಲೀಕರಣ ಶೇ. 56 ರಷ್ಟು ಪೂರ್ಣ
-
ದಿನದ ಸುದ್ದಿ22 hours agoಸ್ಟಾರ್ ಹೆಲ್ತ್ ಉಚಿತ ವೈದ್ಯಕೀಯ ಸಲಹೆ


