Connect with us

ಅಂತರಂಗ

ಅರಿಮೆಯ ಅರಿವಿರಲಿ-39 : ಉದ್ಧಟತನ ಪ್ರವೃತ್ತಿ

Published

on

  • ಯೋಗೇಶ್ ಮಾಸ್ಟರ್

ಅಪರಾಧ

ಪರಾಧ ಎನ್ನುವ ವ್ಯಾಖ್ಯಾನವೇ ನಮ್ಮ ತಿಳುವಳಿಕೆಯ ಕೊರತೆಯನ್ನು ತೋರಿಸುತ್ತದೆ. ಸಾಮಾನ್ಯವಾಗಿ “ಸಾರ್ವಜನಿಕ ಹಿತಾಸಕ್ತಿಗೆ ಘಾಸಿಗೊಳಿಸುವ ಮತ್ತು ಕಾನೂನುಬಾಹಿರವಾದ ಶಿಕ್ಷಾರ್ಹ ಕೃತ್ಯಗಳನ್ನು ಅಪರಾಧ” ಎಂದು ವಿವರಿಸುತ್ತಾರೆ. ಸರಳ ಹೇಳಿಕೆಯಲ್ಲಿ ‘ಗುರುತರವಾದ, ಗಂಭೀರವಾದ ಮತ್ತು ಶಿಕ್ಷಾರ್ಹ ಕೃತ್ಯಗಳು’ ಎಂಬುದೇ ಅದರ ಮೇಲಿನ ಒತ್ತು. ಆದರೆ ಗುರುತರವಾದ ಮತ್ತು ಗಂಭೀರವಾದ ಎಂಬ ಪರಿಗಣನೆಗೆ ಬರುವ ಕೃತ್ಯಗಳು ಯಾವವು? ಯಾವುದನ್ನು ಹಾಗೆ ಗುರುತಿಸುತ್ತೀರಿ?
ಕಾನೂನು ಬಾಹಿರ ಕೃತ್ಯಗಳು ಎಂದು ಯಾವುದನ್ನು ಅಪರಾಧ ಎಂದು ಕರೆಯುತ್ತೇವೆಯೋ ಅದಕ್ಕಿಂತ ಮಿಗಿಲಾದ ಅನೇಕ ಅಪರಾಧಗಳು ಸಾಮಾನ್ಯವಾಗಿದ್ದು ಅವನ್ನು ಕಾನೂನಿನ ಚೌಕಟ್ಟಿಗೆ ಒಳಪಡಿಸಲಾಗುವುದೇ ಇಲ್ಲ.

ಅದರಲ್ಲೂ ಅಪರಾಧಿಗಳನ್ನಾಗಿ ರೂಪಿಸುವಂತಹ ಕೃತ್ಯವು ಇನ್ನೂ ಗುರುತರವಾದದ್ದು ಮತ್ತು ಗಂಭೀರವಾದದ್ದಾದರೂ ಕೂಡಾ ಅವುಗಳನ್ನು ಅಪರಾಧ ಎಂದು ಗುರುತಿಸುವುದಿಲ್ಲ ಹಾಗೂ ಅವನ್ನು ಮಾಡುವವರನ್ನು ಅಪರಾಧಿಗಳು ಎಂದು ಕರೆಯುವುದೇ ಇಲ್ಲ. ಮೂರು ನೆಲೆಗಳಲ್ಲಿ ಅಪರಾಧಗಳಾಗುವುದನ್ನು ಗುರುತಿಸೋಣ. ವ್ಯಕ್ತಿಗತ ಅಥವಾ ವೈಯಕ್ತಿಕ, ಸಾಮಾಜಿಕ ಮತ್ತು ಕಾನೂನಾತ್ಮಕ ಎಂಬುವೇ ಆ ಮೂರು ನೆಲೆಗಳು. ಈ ಮೂರೂ ನೆಲೆಗಳಲ್ಲಿ ಉಂಟಾಗುವ ಅಪರಾಧಗಳಿಗೆ ಅನೇಕ ಕಾರಣಗಳು ಮತ್ತು ಪ್ರಭಾವಗಳು ಇರುತ್ತವೆ. ಅಪರಾಧಿ ಎಂದು ಗುರುತು ಹಚ್ಚಲ್ಪಡದಿದ್ದರೂ ಅಥವಾ ತಾವು ತಮ್ಮನ್ನು ಅಪರಾಧಿ ಎಂದು ಗುರುತಿಸಿಕೊಳ್ಳದಿದ್ದರೂ ಅವರಿಂದ ಅಪರಾಧಗಳು ನಡೆಯುತ್ತಲೇ ಇರುತ್ತವೆ.

ನಿರ್ದೇಶಿತ ಮತ್ತು ಉದ್ದೇಶಿತ ನೈತಿಕತೆಯ ಉಲ್ಲಂಘನೆ, ಆಕಸ್ಮಿಕವಾಗಿ ಘಟಿಸುವಂತವು, ಯಾರಿಂದಲೋ ಅಥವಾ ಯಾವುದರಿಂದಲೋ ಪ್ರೇರಿತ ಎಂದೋ, ಯಾವುದೇ ಬಗೆಯ ಉನ್ಮತ್ತತೆಯಿಂದಲೋ, ಉದ್ದೇಶಿತವಾಗಿ ಅಥವಾ ಅನುದ್ದೇಶಿತವಾಗಿ ಅಪಾಯಗಳನ್ನು ಎದುರಿಸುವ ಸಾಹಸಿಗಳಾಗುವುದರಿಂದಲೋ, ಸೇಡು, ಅಸೂಯೆಯಂತಹ ಶೀತಲ ಮನಸ್ಥಿತಿಯ ಗಾಢ ಪರಿಣಾಮದಿಂದಲೋ ಅಪರಾಧಗಳಾಗುತ್ತವೆ.ಇನ್ನೂ ಬಹುಪಾಲು ಮಕ್ಕಳಿಗೆ ಮುಂಚಿನಿಂದಲೂ ಇವನು ಹೀಗೆ, ಇವನು ಈ ರೀತಿಯ ಹುಡುಗ ಎಂದು ಹಣೆಪಟ್ಟಿ ಕಟ್ಟುವುದರಿಂದಲೂ ಅಪರಾಧಿಯಾಗಿ ರೂಪುಗೊಳ್ಳುತ್ತಿರುತ್ತಾರೆ.

ವೈಯಕ್ತಿಕವಾಗಿ ಅನಿಯಂತ್ರಿತ ವರ್ತನೆಗಳ ಸಮಸ್ಯೆ (ಅಬ್ಸೆಸ್ಸಿವ್ ಕಂಪಸ್ಲಿವ್ ಡಿಸಾರ್ಡರ್), ಉದ್ಧಟತನದ ಸಮಸ್ಯೆಗಳು ಮತ್ತು ಸಮಾಜ ವಿರೋಧಿ ವರ್ತನೆಗಳ ಸಮಸ್ಯೆ ಇವುಗಳು ಕಂಡುಬಂದಲ್ಲಿ ಆ ವ್ಯಕ್ತಿಗೆ ಚಿಕಿತ್ಸೆ ನೀಡಬೇಕು. ಹಾಗೆಯೇ ಸಾಮುದಾಯಕ ಅಥವಾ ಸಾಮಾಜಿಕ ಚಿಕಿತ್ಸೆಯನ್ನೂ ನೀಡಬೇಕು.

ಯಾರು ಮೇಲಿಂದ ಮೇಲೆ ಸಮಾಜ ವಿರೋಧಿ ಚಟುವಟಿಕೆಗಳನ್ನು ಮಾಡುತ್ತಿದ್ದು, ಸಾಮಾಜಿಕ ಕ್ರಮಗಳನ್ನು ಭಂಗ ಮಾಡುತ್ತಾ, ಉದ್ಧಟನದಿಂದ ಮತ್ತು ಆಗ್ರಹದಿಂದ ತಮ್ಮ ಕೆಲಸಗಳ ಮೂಲಕ ಇತರ ನಾಗರಿಕರಿಗೆ ಅಥವಾ ತನ್ನೊಂದಿಗೆ ಬಾಳುತ್ತಿರುವ ಸಹಜೀವಿಗಳಿಗೆ ಕಿರುಕುಳ ಕೊಡುತ್ತಿರುತ್ತಾರೋ ಅವರನ್ನು ಗುರುತಿಸಬೇಕು. ಇದಾಗ ಬೇಕಾಗಿರುವುದು ದೊಡ್ಡವರಾದ ಮೇಲೆ ಎನ್ನುವುದು ತೀರಾ ತಡವಾದಂತೆ. ಮಕ್ಕಳಲ್ಲೇ ಗುರುತಿಸಬೇಕು.

ಉದ್ಧಟತನ ಮತ್ತು ಅನಿಯಂತ್ರಿತ ವರ್ತನೆಗಳ ಸಮಸ್ಯೆಗಳು ಒಟ್ಟೊಟ್ಟಿಗೆ ತಮ್ಮ ಕೆಲಸವನ್ನು ಮಾಡುತ್ತಿರುತ್ತವೆ. ಒಬ್ಬ ವ್ಯಕ್ತಿಯ ಅನಿಯಂತ್ರಿತ ವರ್ತನೆಗಳು ಅವನ ಸಹಜೀವಿಗಳಿಗೆ ಅಥವಾ ಸಮಾಜಕ್ಕೆ ಅನಪೇಕ್ಷಿತ ವರ್ತನೆಗಳಾಗಿವೆ ಎಂದರೆ ಅಲ್ಲಿ ಎಚ್ಚೆತ್ತುಕೊಳ್ಳಬೇಕು. ಮಕ್ಕಳಲ್ಲಿ ಮತ್ತು ಹದಿಹರೆಯದವರಲ್ಲಿ ಈ ಉದ್ಧಟತನ ವರ್ತನೆ ಸಮಸ್ಯೆ ಎಲ್ಲಾ ದೇಶಗಳಲ್ಲೂ, ಎಲ್ಲಾ ಕಾಲಗಳಲ್ಲೂ ಕಾಡುತ್ತಿರುವಂತಹ ಸಾಮಾನ್ಯ ಸಮಸ್ಯೆಯೇ ಆಗಿದೆ. ಈ ಸಮಸ್ಯೆ ಇರುವಂತಹ ಮಕ್ಕಳು ಬೆಳೆದಂತೆಲ್ಲಾ ಬಹುಪಾಲು ಸಮಾಜ ವಿರೋಧದ ಚಟುವಟಿಕೆಗಳಲ್ಲಿ ತೊಡಗುತ್ತಾರೆ. ಅವರ ಮೊದಲ ಲಕ್ಷಣಗಳೆಂದರೆ ಅಶಿಸ್ತಿನ ಜೀವನ ಶೈಲಿಯಿಂದಾಗಿ ಆರ್ಥಿಕ ಮುಗ್ಗಟ್ಟುಗಳನ್ನು ಹೊಂದುತ್ತಾರೆ.

ಕೊರತೆಯ ಒತ್ತಡ ಮತ್ತು ಅದನ್ನು ನೀಗಿಸಿಕೊಳ್ಳಲು ದಾರಿ ತೋರದಿರುವುದು ಅವರ ಮನಸ್ಸನ್ನು ಕೆರಳಿಸುತ್ತಿರುತ್ತದೆ. ಅದಕ್ಕೆ ತಾವೇ ಕಾರಣ ಎಂಬುದನ್ನು ಒಪ್ಪಿಕೊಳ್ಳಲು ಸಿದ್ಧವಿರದ ಕಾರಣ ಆ ಸಿಟ್ಟು ಮತ್ತು ಸೆಡವನ್ನು ಬೇರೆ ಯಾವುದ್ಯಾವುದೋ ರೀತಿಗಳಲ್ಲಿ ತೋರ್ಪಡಿಸಲು ಹಾತೊರೆಯುತ್ತಿರುತ್ತಾರೆ. ಗುಂಪುಗಲಭೆಗಳು ಅವರಿಗೆ ಒಳ್ಳೆಯ ವೇದಿಕೆಯಾಗುತ್ತದೆ.

ಉದ್ಧಟತನದ ಮಕ್ಕಳು ಮತ್ತು ಹದಿಹರೆಯದವರು ತಮಗೆ ಒಳ್ಳೆಯದು ಅಥವಾ ಬೆಳವಣಿಗೆಗೆ ಪೂರಕವಾಗಿರುವುದನ್ನು ಕುಟುಂಬ ಮತ್ತು ಸಮಾಜವು ಕೊಡುತ್ತಿದ್ದರೂ ತಮಗಿರುವ ಸಮಸ್ಯೆಯ ಕಾರಣದಿಂದಾಗಿ ಅದನ್ನು ನಿರಾಕರಿಸುತ್ತಿರುತ್ತಾರೆ. ಇದಕ್ಕೆ ಹಟಮಾರಿತನ ಮತ್ತು ಉದ್ಧಟನ ಎರಡೂ ಆಪ್ತಗೆಳೆಯರಾಗಿರುತ್ತಾರೆ. ಹಟಮಾರಿತನವು ಮೂಲ ಮಾನಸಿಕ ಸ್ಥಿತಿಯಾಗಿದ್ದರೆ, ಉದ್ಧಟತನವು ಅದನ್ನು ಅಭಿವ್ಯಕ್ತಿಸುವ ಪ್ರಕಟಣೆಯಾಗಿರುತ್ತದೆ.

ಮಕ್ಕಳಾಗಿದ್ದಾಗಲೂ ಇವರನ್ನು ನಿಭಾಯಿಸುವುದು ಬರಿಯ ಭಾವನಾತ್ಮಕ ಮತ್ತು ಸಾಮಾಜಿಕ ಸಮಸ್ಯೆ ಮಾತ್ರವಲ್ಲ. ಆರ್ಥಿಕವಾಗಿಯೂ ಕೂಡಾ ಮನೆಯವರಿಗೆ ಒತ್ತಡವಿರುತ್ತದೆ. ಕುಟುಂಬದ ಸೀಮಿತ ಸಂಪನ್ಮೂಲಗಳ ಪರಿವೇ ಇಲ್ಲದೇ ಈ ಬಗೆಯ ಮಕ್ಕಳು ದೊಡ್ಡ ದೊಡ್ಡ ಬಯಕೆಯ ಒತ್ತಡಗಳನ್ನು ಮನೆಯವರ ಮೇಲೆ ಹೇರುವ ಕಾರಣದಿಂದ ಅವರಲ್ಲಿ ಸಂಘರ್ಷಗಳು ಸಾಮಾನ್ಯವಾಗಿರುತ್ತದೆ. ಈ ಮಕ್ಕಳನ್ನು ತೃಪ್ತಿ ಪಡಿಸುವುದು ಕಷ್ಟ ಸಾಧ್ಯ. ಏಕೆಂದರೆ ಇವರ ತೃಪ್ತಿಯು ನಿಜವಾದ ಅಗತ್ಯದ ಅಥವಾ ಕೊರತೆಯ ಮೇಲೆ ಆಧರಿತವಾಗಿರದೇ ಮಾನಸಿಕವಾದ ಸಮಸ್ಯೆಯಾಗಿರುತ್ತದೆ.

ಆದ್ದರಿಂದ ಮಕ್ಕಳಲ್ಲಿ ಮತ್ತು ಹದಿಹರೆಯದವರಲ್ಲಿ ತೋರುವ ಈ ಉದ್ಧಟತನದ ವರ್ತನೆಗಳ ಸಮಸ್ಯೆಗೆ ಬರಿಯ ಮಾನಸಿಕ ಚಿಕಿತ್ಸಾಲಯಗಳು ಮಾತ್ರವಲ್ಲದೇ ಸಾಮಾಜಿಕ ಸಂಸ್ಥೆಗಳು, ಶಾಲೆಗಳು, ಆರಕ್ಷಕ ವ್ಯವಸ್ಥೆ, ಅಪರಾಧ ನಿಯಂತ್ರಣ ಕಾನೂನು ವ್ಯವಸ್ಥೆ, ಮೊಟ್ಟ ಮೊದಲನೆಯದಾಗಿ ಕುಟುಂಬಗಳು ಒಟ್ಟಾಗಿ ಯೋಜಿತವಾಗಿ ಕೆಲಸ ಮಾಡಬೇಕು.

ಉಲ್ಲಂಘನೆ ಮತ್ತು ಅತಿಕ್ರಮಣ

ಉದ್ಧಟತನದ ವರ್ತನೆಗಳ ಸಮಸ್ಯೆ ಇರುವ ಮಕ್ಕಳನ್ನು ಬಹುಬೇಗ ಗುರುತಿಸಬಹುದು. ಸಾರ್ವಜನಿಕ ಹಿತಾಸಕ್ತಿಯ ದೃಷ್ಟಿಯಿಂದ ಯಾವುದನ್ನು ಮಾಡಬಾರದು ಎಂದು ಅಲ್ಲಿ ನಿಯಮವನ್ನು ಮಾಡಿರುತ್ತಾರೋ ಅಲ್ಲಿ ಬೇಕೆಂದೇ ಅದನ್ನು ಮಾಡುವುದು. ಇಲ್ಲಿ ಉಗುಳಬೇಡಿ ಎಂದು ಅಲ್ಲೊಂದು ಫಲಕವಿದ್ದರೆ ಬಾರದಿರುವ ಎಂಜಲ್ಲನ್ನು ತಂದುಕೊಂಡು ಕ್ಯಾಕರಿಸಿ ಉಗುಳಿ ಖುಷಿಪಡುವುದು. ಇಲ್ಲಿ ಗಲಾಟೆ ಮಾಡಬಾರದು ಅಥವಾ ನಿಶ್ಶಬ್ಧತೆಯನ್ನು ಕಾಪಾಡಿ ಎಂದಿದ್ದರೆ ‘ಹೋ’ ಎಂದು ಕಿರುಚುವುದು. ವಸ್ತು ಸಂಗ್ರಹಾಲಯಗಳಲ್ಲಿ ಸಂರಕ್ಷಿಸಿಟ್ಟ ವಸ್ತುಗಳನ್ನು ಹಾನಿ ಮಾಡುವುದು, ಪುರಾತತ್ವ ಸಂರಕ್ಷಿತ ಸ್ಮಾರಕಗಳ ಮೇಲೆ ಕೆತ್ತುವುದು, ವಿಗ್ರಹಗಳನ್ನು ಭಗ್ನಗೊಳಿಸುವುದು, ವಿರೂಪಗೊಳಿಸುವುದು; ಇತ್ಯಾದಿ.

ಸಾಮಾನ್ಯವಾಗಿ ಇಂತಹ ಕ್ರಿಯೆಗಳು ಕುಟುಂಬದವರೊಡನೆ ಹೋದಾಗ ಮಾಡುವುದಕ್ಕಿಂತ ಸ್ನೇಹಿತರ ಗುಂಪುಗಳೊಡನೆ ಹೋದಾಗ ಹೆಚ್ಚಾಗುತ್ತವೆ. ಶಾಲೆಗಳಲ್ಲಿ ಮಕ್ಕಳನ್ನು ಗುಂಪುಗಳಲ್ಲಿ ಹೊರಗೆ ಕರೆದುಕೊಂಡು ಹೋದಾಗ ಇಂತಹ ದುಂಡಾವರ್ತಿ ಮತ್ತು ಉಲ್ಲಂಘನೆಯ ವರ್ತನೆಗಳನ್ನು ಶಿಕ್ಷಕರು ಕಾಣುತ್ತಾರೆ. ಆದರೆ ನಮ್ಮ ಬಹುಪಾಲು ಶಿಕ್ಷಕರ ಸಮಸ್ಯೆಯೆಂದರೆ ಅದಕ್ಕೆ ಅಲ್ಲಿ ತಮ್ಮ ಪ್ರತಿಕ್ರಿಯೆಯನ್ನು ತೋರುತ್ತಾರೆಯೇ ಹೊರತು ಅಂತಹ ಮಕ್ಕಳನ್ನು ಗುರುತಿಸಿ ಮನೋವೈಜ್ಞಾನಿಕವಾದಂತಹ ದಿಕ್ಕಿನಲ್ಲಿ ಕ್ರಮಗಳನ್ನು ತೆಗೆದುಕೊಳ್ಳುವ ಅರಿವು, ಒಲವು, ಸಹನೆ ಮತ್ತು ಕಾಳಜಿ ಇಲ್ಲದಿರುವುದು.

ಮಕ್ಕಳ ಉಲ್ಲಂಘನೆ, ಅತಿಕ್ರಮ ಮತ್ತು ದುಂಡಾವರ್ತಿ ವರ್ತನೆಗಳು ಜವಾಬ್ದಾರಿ ಹೊತ್ತಿರುವ ತಮ್ಮ ನಿಂದನೆಗೆ ಕಾರಣವಾಗುತ್ತದೆ ಎಂದು ಬೈದೋ, ಹೊಡೆದೋ, ಹೆದರಿಸಿಯೋ ಸುಮ್ಮನಿರಿಸಲು ಯತ್ನಿಸುತ್ತಾರೆಯೋ ಹೊರತು ಅವರನ್ನು ಸರಿದಾರಿಗೆ ತರುವ ನಿಟ್ಟಿನಲ್ಲಿ ಕೆಲಸ ಮಾಡುವುದೇ ಇಲ್ಲ. ನಮ್ಮ ಭಾರತದ ಮಟ್ಟಿಗಂತೂ ಇದು ರಾಷ್ಟ್ರೀಯ ಸಮಸ್ಯೆ. ಯಾವುದೇ ರೀತಿಯ ಉಲ್ಲಂಘನೆಗಳನ್ನು ಮಾಡುವಂತಹ ಮನಸ್ಥಿತಿಯಿರುವವರು ಸಮಾನ ಮನಸ್ಥಿತಿಯ ಮಂದಿಯ ಗುಂಪುಗಳಲ್ಲಿ ಗರಿಗೆದರುತ್ತಾರೆ. ಶಕ್ತಿಪಡೆಯುತ್ತಾರೆ. ಸುಂದರವಾಗಿರುವ ಸಂರಕ್ಷಿತ ಐತಿಹಾಸಿಕ ಸ್ಮಾರಕಗಳನ್ನು ಹಾಳುಗೆಡವುವರು ಇಂತವರೇ.

ವಿಗ್ರಹವೊಂದರ ಮೊನಚು ನಾಸಿಕದ ಸೌಂದರ್ಯವನ್ನು ಕಲ್ಲಿಂದ ಬಡಿದು ಚಪ್ಪೆ ಮೂಗು ಮಾಡಿ ವಿರೂಪಗೊಳಿಸುವ ಈ ಮಂದಿಗೆ ರಸಿಕತನವಿರುವುದಿಲ್ಲ. ಸೌಂದರ್ಯವನ್ನು ಗ್ರಹಿಸುವ ಸ್ವಭಾವವಿರುವುದಿಲ್ಲ. ರಸಗ್ರಹಣದ ತರಬೇತಿ ಇರುವುದಿಲ್ಲ. ಪುರಾತತ್ವ ಪ್ರದೇಶಗಳಿಗೆ ಹೋದಾಗ ಅಲ್ಲಿನ ಸ್ಮಾರಕಗಳ ಮಧ್ಯೆ ನಡೆದಾಡುವಾಗ ಆವರಿಸುವ ಹಳತರ ಗಮಲು ಅವರಿಗೆಂದೂ ವಾಸನೆಯಾಗುವುದೇ ಇಲ್ಲ. ಇವೆಲ್ಲಾ ಉದ್ಧಟನದ ಸಮಸ್ಯೆಯೇ ಆಗಿದ್ದು ಉಲ್ಲಂಘನೆಯ ಪ್ರಕಟಣೆಗಳಾಗಿರುತ್ತವೆ. ಇದೇ ಉದ್ಧಟನವು ಅತಿಕ್ರಮಣದ ಮೂಲಕವೂ ಪ್ರಕಟಣೆಗೊಳ್ಳುತ್ತಿರುತ್ತವೆ.

(ಮುಂದುವರಿಯುವುದು)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ

ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ

Published

on

ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ ಕಂಠಸಿರಿಯಿಂದ ಆರು ದಶಕಗಳಿಗೂ ಹೆಚ್ಚು ಕಾಲ ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯವನ್ನು ಗೆದ್ದಿದ್ದ ಈ ಮಹಾನ್ ಹಿನ್ನೆಲೆ ಗಾಯಕಿ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನವು ಕೇವಲ ಒಬ್ಬ ಗಾಯಕಿಯ ಅಗಲಿಕೆಯಲ್ಲ; ಭಾರತೀಯ ಸಂಗೀತ ಪರಂಪರೆಯ ಒಂದು ಮಹತ್ತರ ಯುಗದ ಅಂತ್ಯವಾಗಿದೆ.

ಸಂಗೀತವು ಭಾಷೆಯ ಎಲ್ಲೆಗಳನ್ನು ಮೀರಿ ಹೃದಯವನ್ನು ತಲುಪುವ ಮಾಧ್ಯಮ. ಆ ಸತ್ಯವನ್ನು ತಮ್ಮ ಗಾಯನದ ಮೂಲಕ ಸಾಬೀತುಪಡಿಸಿದ ಕಲಾವಿದೆ ಎಸ್. ಜಾನಕಿ. ಅವರು ಹಾಡಿದ ಸಾವಿರಾರು ಗೀತೆಗಳು ಇಂದಿಗೂ ಪ್ರೀತಿ, ವಿರಹ, ಭಕ್ತಿ, ಮಾತೃತ್ವ, ಸಂತೋಷ ಮತ್ತು ಬದುಕಿನ ಸೂಕ್ಷ್ಮ ಭಾವನೆಗಳಿಗೆ ಧ್ವನಿಯಾಗಿವೆ. ಅವರ ಕಂಠ ಕೇಳಿದ ಕ್ಷಣವೇ ಹಾಡಿನ ಪಾತ್ರ ಜೀವಂತವಾಗಿ ಕಣ್ಣೆದುರು ಮೂಡುತ್ತಿತ್ತು. ಅದೇ ಅವರ ಗಾಯನದ ಮಹತ್ವ.

ಸಾಮಾನ್ಯ ಕುಟುಂಬದಿಂದ ಸಂಗೀತ ಸಾಮ್ರಾಜ್ಯದವರೆಗೆ

1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ಸಮೀಪ ಜನಿಸಿದ ಜಾನಕಿ, ಬಾಲ್ಯದಿಂದಲೇ ಸಂಗೀತದತ್ತ ಅತೀವ ಆಸಕ್ತಿ ಹೊಂದಿದ್ದರು. ಮನೆಯಲ್ಲಿದ್ದ ಸಂಗೀತದ ವಾತಾವರಣವೇ ಅವರ ಪ್ರತಿಭೆಗೆ ಮೊದಲ ಪ್ರೇರಣೆ. ಸಂಪ್ರದಾಯಬದ್ಧ ಸಂಗೀತ ಶಿಕ್ಷಣ ಸೀಮಿತವಾಗಿದ್ದರೂ, ದೇವರು ನೀಡಿದ ಸಹಜ ಕಂಠವೇ ಅವರನ್ನು ಅಪರೂಪದ ಗಾಯಕಿಯನ್ನಾಗಿ ರೂಪಿಸಿತು.

ಕುಟುಂಬದ ಬೆಂಬಲದೊಂದಿಗೆ ಅವರು ಆಗಿನ ಮದ್ರಾಸಿಗೆ ತೆರಳಿ ಹಿನ್ನೆಲೆ ಗಾಯನದಲ್ಲಿ ಅವಕಾಶ ಹುಡುಕಿದರು. ಆರಂಭದ ದಿನಗಳು ಸುಲಭವಾಗಿರಲಿಲ್ಲ. ಆದರೆ ಪ್ರತಿಭೆ, ಶ್ರಮ ಮತ್ತು ಸಂಗೀತದ ಮೇಲಿನ ಅಚಲ ನಿಷ್ಠೆ ಅವರನ್ನು ಬೇಗನೇ ಸಂಗೀತ ನಿರ್ದೇಶಕರ ಗಮನಕ್ಕೆ ತಂದಿತು. 1957ರಲ್ಲಿ ಆರಂಭವಾದ ಅವರ ಗಾಯನಯಾನ, ನಂತರ ಭಾರತದ ಸಂಗೀತ ಇತಿಹಾಸದಲ್ಲೇ ಅತ್ಯಂತ ದೀರ್ಘ ಹಾಗೂ ಯಶಸ್ವಿ ಪಯಣಗಳಲ್ಲಿ ಒಂದಾಗಿ ಬೆಳೆಯಿತು.

ಭಾಷೆಗಳ ಗಡಿಗಳನ್ನು ಮೀರಿ ಮೊಳಗಿದ ಧ್ವನಿ

ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ, ಒಡಿಯಾ, ತುಳು, ಕೊಂಕಣಿ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ಅವರು ಸಾವಿರಾರು ಹಾಡುಗಳನ್ನು ಹಾಡಿದರು. ವಿವಿಧ ಮೂಲಗಳ ಪ್ರಕಾರ ಅವರು 40 ಸಾವಿರಕ್ಕೂ ಅಧಿಕ ಗೀತೆಗಳಿಗೆ ಧ್ವನಿಯಾಗಿದ್ದಾರೆ.

ಪ್ರತಿ ಭಾಷೆಯ ಉಚ್ಚಾರಣೆಯನ್ನು ಅತ್ಯಂತ ಶ್ರದ್ಧೆಯಿಂದ ಕಲಿತು, ಆ ಭಾಷೆಯವರೇ ಹಾಡಿದಂತೆ ಹಾಡುವುದು ಅವರ ವಿಶೇಷತೆ. ಅದಕ್ಕಾಗಿಯೇ ಅವರು ಹಾಡಿದ ಗೀತೆಗಳನ್ನು ಯಾವ ರಾಜ್ಯದ ಜನರೂ ತಮ್ಮದೇ ಭಾಷೆಯ ಹಾಡುಗಳೆಂದು ಪ್ರೀತಿಸಿದರು. ಒಬ್ಬ ಗಾಯಕಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ.

ಕನ್ನಡಿಗರ ಮನದ ಜಾನಕಿ

ಕರ್ನಾಟಕದ ಸಂಗೀತಾಸಕ್ತರಿಗೆ ಎಸ್. ಜಾನಕಿ ಎಂದರೆ ವಿಶೇಷವಾದ ಭಾವನಾತ್ಮಕ ಬಂಧ. ಕನ್ನಡ ಚಿತ್ರರಂಗದ ಸುವರ್ಣಯುಗದ ನೂರಾರು ಅಮರಗೀತೆಗಳಿಗೆ ಅವರು ಜೀವ ತುಂಬಿದ್ದಾರೆ.

ಡಾ. ರಾಜ್‌ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್, ಅನಂತ್ ನಾಗ್, ರಮೇಶ್ ಅರವಿಂದ್ ಸೇರಿದಂತೆ ಹಲವು ತಲೆಮಾರಿನ ನಟ–ನಟಿಯರ ಭಾವನೆಗಳಿಗೆ ಅವರ ಧ್ವನಿಯೇ ಆತ್ಮವಾಗಿತ್ತು.

ವಿಜಯಭಾಸ್ಕರ್, ಜಿ.ಕೆ. ವೆಂಕಟೇಶ್, ರಾಜನ್–ನಾಗೇಂದ್ರ, ಉಪೇಂದ್ರ ಕುಮಾರ್, ಹಂಸಲೇಖ ಸೇರಿದಂತೆ ಕನ್ನಡದ ಶ್ರೇಷ್ಠ ಸಂಗೀತ ನಿರ್ದೇಶಕರೊಂದಿಗೆ ಅವರು ನೀಡಿದ ಹಾಡುಗಳು ಇಂದಿಗೂ ಸಂಗೀತಾಸಕ್ತರ ತುಟಿಗಳಲ್ಲಿ ಜೀವಂತವಾಗಿವೆ.

ಪ್ರೇಮಗೀತೆಗಳಾಗಲಿ, ಭಕ್ತಿಗೀತೆಗಳಾಗಲಿ, ಜಾನಪದ ಸೊಗಡಿನ ಹಾಡುಗಳಾಗಲಿ ಅಥವಾ ವಿರಹದ ಮೌನವನ್ನು ಹೇಳುವ ಮಧುರಗೀತೆಗಳಾಗಲಿ—ಜಾನಕಿ ಅವರ ಧ್ವನಿ ಪ್ರತಿಯೊಂದು ಭಾವಕ್ಕೂ ಹೊಸ ಅರ್ಥ ನೀಡುತ್ತಿತ್ತು.

ಇಳಯರಾಜಾ–ಜಾನಕಿ: ಸಂಗೀತದ ಅದ್ಭುತ ಜೋಡಿ

ತಮಿಳು ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕ ಇಳಯರಾಜಾ ಮತ್ತು ಎಸ್. ಜಾನಕಿ ಅವರ ಸಂಗಮ ಭಾರತೀಯ ಚಿತ್ರಸಂಗೀತದ ಅತ್ಯಂತ ಯಶಸ್ವಿ ಜೋಡಿಗಳಲ್ಲಿ ಒಂದು.

ಇಳಯರಾಜಾ ಅವರ ಸಂಗೀತದ ಸೂಕ್ಷ್ಮ ಭಾವಗಳನ್ನು ಜಾನಕಿ ತಮ್ಮ ಧ್ವನಿಯಲ್ಲಿ ಜೀವಂತಗೊಳಿಸುತ್ತಿದ್ದರು. ಈ ಜೋಡಿಯ ಅನೇಕ ಗೀತೆಗಳು ಇಂದಿಗೂ ದಕ್ಷಿಣ ಭಾರತದ ಸಂಗೀತಾಭಿಮಾನಿಗಳ ನಿತ್ಯ ಸಂಗಾತಿಗಳಾಗಿವೆ.

ಅದೇ ರೀತಿ ಎಂ.ಎಸ್. ವಿಶ್ವನಾಥನ್, ಕೆ.ವಿ. ಮಹಾದೇವನ್, ಚಕ್ರವರ್ತಿ, ಹಂಸಲೇಖ, ರಾಜನ್–ನಾಗೇಂದ್ರ, ವಿಜಯಭಾಸ್ಕರ್ ಮೊದಲಾದ ದಿಗ್ಗಜರ ಸಂಗೀತಕ್ಕೂ ಅವರು ವಿಶಿಷ್ಟ ಕಂಠಸಿರಿ ನೀಡಿದ್ದಾರೆ.

ಧ್ವನಿಯೊಳಗಿದ್ದ ಸಾವಿರ ರೂಪಗಳು

ಎಸ್. ಜಾನಕಿ ಅವರ ಗಾಯನದ ಅತ್ಯಂತ ದೊಡ್ಡ ವೈಶಿಷ್ಟ್ಯವೆಂದರೆ ಧ್ವನಿಯ ರೂಪಾಂತರ. ಒಂದು ಹಾಡಿನಲ್ಲಿ ಮಗು ಮಾತನಾಡಿದಂತೆ ಹಾಡಬಲ್ಲರು; ಮತ್ತೊಂದು ಹಾಡಿನಲ್ಲಿ ವಯಸ್ಸಾದ ಮಹಿಳೆಯ ಭಾವನೆ ಮೂಡಿಸುತ್ತಿದ್ದರು. ಕೆಲವೊಮ್ಮೆ ಗ್ರಾಮೀಣ ಹುಡುಗಿಯ ಮುಗ್ಧತೆ, ಮತ್ತೊಮ್ಮೆ ನಗರ ಮಹಿಳೆಯ ಆತ್ಮವಿಶ್ವಾಸ, ಇನ್ನೊಮ್ಮೆ ತಾಯಿಯ ಮಮತೆ, ಮತ್ತೆ ಭಕ್ತೆಯ ಪ್ರಾರ್ಥನೆ—ಪ್ರತಿ ಭಾವಕ್ಕೂ ಬೇರೆ ಧ್ವನಿಯನ್ನು ನೀಡುವ ಸಾಮರ್ಥ್ಯ ಅವರಿಗೆ ಮಾತ್ರ ಸಾಧ್ಯವಾಗಿತ್ತು. ಅವರ ಧ್ವನಿ ಕೇವಲ ಸಂಗೀತವಲ್ಲ; ಅದು ಅಭಿನಯವೂ ಆಗಿತ್ತು.

ಶ್ರಮ, ಶಿಸ್ತು ಮತ್ತು ಪರಿಪೂರ್ಣತೆಯ ಪ್ರತೀಕ

ಒಂದು ಹಾಡನ್ನು ಹಾಡುವ ಮೊದಲು ಅದರ ಸಾಹಿತ್ಯವನ್ನು ಸಂಪೂರ್ಣ ಅರ್ಥೈಸಿಕೊಳ್ಳುವುದು ಅವರ ಅಭ್ಯಾಸ. ಉಚ್ಚಾರಣೆಯಲ್ಲಿ ಯಾವುದೇ ತಪ್ಪು ಆಗಬಾರದು ಎಂಬ ಕಾರಣಕ್ಕೆ ಹೊಸ ಭಾಷೆಗಳನ್ನು ಸಹ ಕಲಿಯುತ್ತಿದ್ದರು.

ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಸಮಯಪಾಲನೆ, ಶಿಸ್ತು ಹಾಗೂ ಸಂಗೀತದ ಮೇಲಿನ ಅಪಾರ ಗೌರವದಿಂದ ಅವರು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.

ಸಂಗೀತ ನಿರ್ದೇಶಕರು ಅನೇಕ ಬಾರಿ ಹೇಳಿದ್ದೇನಂದರೆ, ಜಾನಕಿ ಹಾಡನ್ನು ಒಮ್ಮೆ ಅರ್ಥ ಮಾಡಿಕೊಂಡರೆ ಅದನ್ನು ಮತ್ತೆ ವಿವರಿಸುವ ಅಗತ್ಯವೇ ಇರಲಿಲ್ಲ.

ಪ್ರಶಸ್ತಿಗಳಿಗಿಂತ ದೊಡ್ಡದು ಜನರ ಪ್ರೀತಿ

ಎಸ್. ಜಾನಕಿ ಅವರು ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ವಿವಿಧ ರಾಜ್ಯ ಸರ್ಕಾರಗಳಿಂದ ಮೂವತ್ತಕ್ಕೂ ಅಧಿಕ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿಗಳು ಅವರಿಗೆ ಸಂದಿವೆ. ಆದರೆ ಅವರು ಎಂದಿಗೂ ಪ್ರಶಸ್ತಿಗಳಿಗಾಗಿ ಹಾಡಲಿಲ್ಲ. ಸಂಗೀತವೇ ಅವರ ಧ್ಯಾನ, ಗಾಯನವೇ ಅವರ ಪೂಜೆ.

ಪದ್ಮಭೂಷಣ ಪ್ರಶಸ್ತಿಯನ್ನು ಅವರು ವಿನಯಪೂರ್ವಕವಾಗಿ ನಿರಾಕರಿಸಿದ್ದು ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು. ತಮ್ಮ ಸಾಧನೆಗೆ ತಡವಾಗಿ ಗೌರವ ನೀಡಲಾಗಿದೆ ಎಂಬ ಭಾವನೆಯನ್ನು ಅವರು ಅತ್ಯಂತ ಗೌರವಯುತವಾಗಿ ವ್ಯಕ್ತಪಡಿಸಿದ್ದರು.

ಎಸ್.ಪಿ.ಬಿ.–ಜಾನಕಿ: ಮರೆಯಲಾಗದ ಸಂಗೀತಯಾನ

ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಎಸ್. ಜಾನಕಿ ಅವರ ಜೋಡಿ ಭಾರತೀಯ ಚಿತ್ರಸಂಗೀತದ ಅತ್ಯಂತ ಜನಪ್ರಿಯ ಗಾಯನ ಜೋಡಿಗಳಲ್ಲಿ ಒಂದು.

ಅವರಿಬ್ಬರು ಹಾಡಿದ ಸಾವಿರಾರು ಯುಗಲಗೀತೆಗಳು ಇಂದಿಗೂ ರೇಡಿಯೋಗಳಲ್ಲಿ, ಸಂಗೀತ ಕಾರ್ಯಕ್ರಮಗಳಲ್ಲಿ ಮತ್ತು ಅಭಿಮಾನಿಗಳ ನೆನಪುಗಳಲ್ಲಿ ಸದಾ ಕೇಳಿಸುತ್ತಿವೆ.ಇವರ ಗಾಯನದಲ್ಲಿ ಸ್ಪರ್ಧೆಯಿರಲಿಲ್ಲ; ಪರಸ್ಪರ ಪೂರಕವಾದ ಸಂಗೀತ ಮಾತ್ರ ಇತ್ತು.

ಸರಳತೆಯೇ ಅವರ ಅಲಂಕಾರ

ಅಸಂಖ್ಯಾತ ಪ್ರಶಸ್ತಿಗಳು, ಲಕ್ಷಾಂತರ ಅಭಿಮಾನಿಗಳು, ದೇಶವ್ಯಾಪಿ ಖ್ಯಾತಿ—ಇವೆಲ್ಲ ಇದ್ದರೂ ಎಸ್. ಜಾನಕಿ ಅತ್ಯಂತ ಸರಳ ಜೀವನ ನಡೆಸಿದರು.ವೇದಿಕೆಯಲ್ಲಿ ಎಂದಿಗೂ ಆಡಂಬರ ತೋರಲಿಲ್ಲ. ಸಂದರ್ಶನಗಳಲ್ಲಿಯೂ ತಮ್ಮ ಸಾಧನೆಗಿಂತ ಸಂಗೀತದ ಮಹತ್ವದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರು.ಹೊಸ ಗಾಯಕರಿಗೆ ಪ್ರೋತ್ಸಾಹ ನೀಡುವುದು, ಅವರನ್ನು ಮೆಚ್ಚುವುದು ಮತ್ತು ಸಂಗೀತವನ್ನು ಗೌರವಿಸುವಂತೆ ಸಲಹೆ ನೀಡುವುದು ಅವರ ಸ್ವಭಾವವಾಗಿತ್ತು.

ಹೊಸ ತಲೆಮಾರಿನಲ್ಲೂ ಜೀವಂತ ಧ್ವನಿ

ಡಿಜಿಟಲ್ ಸಂಗೀತದ ಯುಗದಲ್ಲಿಯೂ ಎಸ್. ಜಾನಕಿ ಅವರ ಹಾಡುಗಳ ಜನಪ್ರಿಯತೆ ಕಡಿಮೆಯಾಗಲಿಲ್ಲ. ಯೂಟ್ಯೂಬ್, ಸಂಗೀತ ಆ್ಯಪ್‌ಗಳು, ರಿಯಾಲಿಟಿ ಶೋಗಳು, ಸಾಮಾಜಿಕ ಜಾಲತಾಣಗಳು—ಎಲ್ಲೆಡೆ ಅವರ ಹಾಡುಗಳು ಹೊಸ ತಲೆಮಾರಿನ ಕಿವಿಗಳಿಗೆ ತಲುಪುತ್ತಲೇ ಇವೆ. ಇಂದಿನ ಅನೇಕ ಯುವ ಗಾಯಕ–ಗಾಯಕಿಯರು ತಮ್ಮ ಸಂಗೀತಯಾನದ ಪ್ರೇರಣೆಯಾಗಿ ಜಾನಕಿ ಅವರನ್ನು ಉಲ್ಲೇಖಿಸುತ್ತಾರೆ.

ಸಂಗೀತ ಲೋಕದ ಕಂಬನಿ

ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ದೇಶದಾದ್ಯಂತ ಸಂಗೀತ ಲೋಕದಲ್ಲಿ ಶೋಕದ ಛಾಯೆ ಆವರಿಸಿತು. ಚಿತ್ರರಂಗದ ಗಣ್ಯರು, ಸಂಗೀತ ನಿರ್ದೇಶಕರು, ಗಾಯಕ–ಗಾಯಕಿಯರು, ಸಾಹಿತ್ಯಿಕರು, ರಾಜಕೀಯ ನಾಯಕರು ಹಾಗೂ ಲಕ್ಷಾಂತರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಭಾವಪೂರ್ಣ ನಮನ ಸಲ್ಲಿಸಿದರು.

“ಒಂದು ಯುಗ ಮುಗಿಯಿತು”, “ಗಾನಕೋಗಿಲೆಯ ಧ್ವನಿ ಎಂದೆಂದಿಗೂ ಜೀವಂತ”, “ನಮ್ಮ ಜೀವನದ ನೆನಪುಗಳಿಗೆ ಹಿನ್ನೆಲೆ ಸಂಗೀತ ನೀಡಿದ ಧ್ವನಿ” ಎಂಬ ಮಾತುಗಳು ಎಲ್ಲೆಡೆ ಕೇಳಿಬಂದವು.

ಕನ್ನಡಿಗರ ನೆನಪಿನಲ್ಲಿ ಎಂದೆಂದಿಗೂ

ಕರ್ನಾಟಕದ ಮನೆಮನೆಗಳಲ್ಲೂ ಎಸ್. ಜಾನಕಿ ಅವರ ಹಾಡುಗಳು ಇಂದಿಗೂ ಬೆಳಗಿನ ಭಕ್ತಿಗೀತೆಗಳಾಗಿ, ಪ್ರೇಮಗೀತೆಗಳಾಗಿ, ಹಬ್ಬದ ಸಂಭ್ರಮವಾಗಿ, ಬದುಕಿನ ನೆನಪುಗಳಾಗಿ ಮೊಳಗುತ್ತಿವೆ.

ಅವರ ಧ್ವನಿ ಅನೇಕ ಕುಟುಂಬಗಳ ಭಾವನೆಗಳ ಒಂದು ಭಾಗವಾಗಿದೆ. ತಾಯಿಯ ನೆನಪಿನಲ್ಲಿ, ಪ್ರೀತಿಯ ನೆನಪಿನಲ್ಲಿ, ಬಾಲ್ಯದ ನೆನಪಿನಲ್ಲಿ, ಹಬ್ಬದ ಸಂಭ್ರಮದಲ್ಲಿ—ಎಲ್ಲೆಲ್ಲೂ ಜಾನಕಿ ಅವರ ಹಾಡುಗಳಿವೆ.

ಸ್ವರ ಮೌನವಾದರೂ…

ಕಾಲ ಬದಲಾಗಬಹುದು. ಸಂಗೀತದ ಶೈಲಿಗಳು ಬದಲಾಗಬಹುದು. ಹೊಸ ತಂತ್ರಜ್ಞಾನಗಳು ಬರಬಹುದು. ಆದರೆ ಭಾವನೆಗೆ ಜೀವ ತುಂಬುವ ಧ್ವನಿಗಳು ಅಪರೂಪ.

ಎಸ್. ಜಾನಕಿ ಅಂತಹ ಅಪರೂಪದ ಧ್ವನಿ. ಅವರ ದೇಹ ನಮ್ಮೊಂದಿಗಿಲ್ಲ. ಆದರೆ ಅವರು ಹಾಡಿದ ಪ್ರತಿಯೊಂದು ಗೀತೆ ಮುಂದಿನ ಹಲವು ತಲೆಮಾರುಗಳಿಗೂ ಬದುಕಿನ ಸಂಗಾತಿಯಾಗಿರುತ್ತದೆ. ಸಂಗೀತ ಇತಿಹಾಸವನ್ನು ಬರೆಯುವಾಗ ಅವರ ಹೆಸರನ್ನು ಬಿಟ್ಟು ಮುಂದೆ ಸಾಗುವುದು ಅಸಾಧ್ಯ. ಮರಣವು ಒಬ್ಬ ವ್ಯಕ್ತಿಯನ್ನು ಮಾತ್ರ ಕಸಿದುಕೊಳ್ಳಬಹುದು; ಅವರು ಸೃಷ್ಟಿಸಿದ ಕಲೆಯನ್ನು ಅಲ್ಲ.

ಎಸ್. ಜಾನಕಿ ಅವರ ಸ್ವರ ಇಂದು ಮೌನವಾಗಿದೆ. ಆದರೆ ಅವರು ಹಾಡಿದ ಸಾವಿರಾರು ಗೀತೆಗಳು ಭಾರತೀಯ ಸಂಗೀತಾಕಾಶದಲ್ಲಿ ಶಾಶ್ವತವಾಗಿ ಪ್ರತಿಧ್ವನಿಸುತ್ತಲೇ ಇರುತ್ತವೆ.
ಅವರ ಕಂಠಸಿರಿ ಕಾಲವನ್ನು ಮೀರಿದೆ.
ಅವರ ಸಂಗೀತ ತಲೆಮಾರುಗಳನ್ನು ಮೀರಿದೆ.
ಅವರ ನೆನಪು ಎಂದಿಗೂ ಅಳಿಯದು.

ಸ್ವರ ಮೌನವಾಗಿದೆ… ಆದರೆ ಸಂಗೀತ ಅಮರವಾಗಿದೆ. ಅದೇ ಎಸ್. ಜಾನಕಿ ಅವರ ಶಾಶ್ವತ ಪರಂಪರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ಕವಿತೆ | ದೇವರ ಹೂವು

Published

on

~ ಡಾ. ಸಿ.ಬಿ.ಐನಳ್ಳಿ

ಊಟ ಮಾಟ ವೇಷ ಭಾಷೆ
ಪ್ರಾರ್ಥನೆ ಬೇರೆ ಬೇರೆ
ಪವಿತ್ರಪಠ್ಯ ಅವನದೊಂದು
ನನ್ನದಿನ್ನೊಂದಂತೆ

ನದಿ ದಂಡೆಯ ಮೇಲೆ
ನೋಟ ಬೆರೆತು ಮಾತು ಮರೆತು
ಮೈತ್ರಿ ಮೊಳೆಯಿತು
ಎಷ್ಟು ಬಿಗಿದಪ್ಪಿಕೊಂಡರೂ
ಉಳಿಯುತ್ತಿತ್ತು ನಡುವೆ ಸಣ್ಣ ಪೊಳ್ದಾಣ

ಹೂದೋಟದ ದುಂಬಿ ಸತತ ಮೂರು
ವಸಂತದ ಗಾಳಿ ಅಣಕಿಸಿದಾಗ
ಪರಾಗಸ್ಪರ್ಶಕೆ ಹೊಸ ಹೂವೊಂದು
ಅರಳಿ ನಿಂತಿತು
ಪೊಳ್ಳಿನ ನೆನಪೇ ಮಾಯವಾಗಿದೆ

ಎಳೆ ಹೂವು ಮೈಮರೆತು
ಹಾಡಿ ಓಡಿ ನಲಿಯುತಿದೆ
ಧರ್ಮ ನನ್ನ ಕಣ್ಣೊಳಗೆ ಜಿನುಗಿ
ಹನಿಯಾಗಿ ಜಾರುತಿದೆ

ಕವಿ ಪರಿಚಯ : ಡಾ. ಸಿ.ಬಿ.ಐನಳ್ಳಿ, ಸಹಾಯಕ ಪ್ರಾಧ್ಯಾಪಕರು, ಇಂಗ್ಲೀಷ್ ವಿಭಾಗ, ಕರ್ನಾಟಕ ಕಲಾ ಮಹಾವಿದ್ಯಾಲಯ, ಧಾರವಾಡ

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

Trending