Connect with us

ಅಂತರಂಗ

ಅರಿಮೆಯ ಅರಿವಿರಲಿ-43 : ನಿನ್ನ ಸಹವಾಸ ಸಾಕು

Published

on

  • ಯೋಗೇಶ್ ಮಾಸ್ಟರ್

ನಾನು’ – ದ ಫಸ್ಟ್ ಪರ್ಸನ್ – ಏಕವಚನದ ವ್ಯಕ್ತಿಯಾದ ನಾನು ನನ್ನ ಜೊತೆಗೆ ಜೀವಿಸುತ್ತಿರುವವರನ್ನು ಅರಿಮೆಯಿಂದ ಮುಕ್ತರನ್ನಾಗಿಸುವ ಜವಾಬ್ದಾರಿಯನ್ನು ತೆಗೆದುಕೊಳ್ಳುವುದಾದರೆ ಮೊದಲು ನನ್ನ ಅರಿಮೆಯನ್ನು ಅರಿಯಬೇಕು. ಅದನ್ನು ಒಪ್ಪಿಕೊಳ್ಳಲು ನನ್ನ ಅಹಂಕಾರ ಅಡ್ಡ ಬರಬಾರದು. ಎರಡನೆಯದು ಅದರ ಬಗ್ಗೆ ಸದಾ ಜಾಗರೂಕತೆಯಿಂದ ನನ್ನ ನಾನು ಗಮನಿಸಿಕೊಳ್ಳಬೇಕು. ಎಲ್ಲೆಲ್ಲಿ ಅದು ತನ್ನ ತಲೆ ಎತ್ತುವ ಸಾಧ್ಯತೆಗಳನ್ನು ಕಂಡುಕೊಳ್ಳುತ್ತೇನೋ ಅಲ್ಲಿ ಅದನ್ನು ಮಣಿಸುವಂತೆ ವರ್ತನೆಯನ್ನು ತೋರಬೇಕು.

ಉದಾಹರಣೆಗೆ ಆತ್ಮರತಿ ಅಥವಾ ನಾರ್ಸಿಸಂ ಗಮನಕ್ಕೆ ಬಂದ ಕೂಡಲೇ ಉದ್ದೇಶಪೂರ್ವಕವಾಗಿ ವಿನಯವನ್ನು ಅಭ್ಯಾಸ ಮಾಡಬೇಕು. ನಾನು ವಿನಯದ ವರ್ತನೆಯನ್ನು ತೋರಿದರೆ ನಾನು ಸೋತಂತೆ ನನ್ನ ಎದುರಾಳಿಗೆ ಗೆಲ್ಲುವುದಕ್ಕೆ ಬಿಟ್ಟಂತೆ ಎಂಬಂತಹ ಆಲೋಚನೆ ಬರಬಾರದು. ಬಂದರೂ ಪರವಾಗಿಲ್ಲ. ನನ್ನ ದೌರ್ಬಲ್ಯವನ್ನು ನಾನು ಗೆಲ್ಲುವುದು ಅತ್ಯಂತ ಮುಖ್ಯ ಎಂಬ ಮನವರಿಕೆಯಿಂದ ವರ್ತಿಸಬೇಕು. ಸಾಮಾನ್ಯವಾಗಿ ನನ್ನ ಎದುರಾಳಿಯು ನನ್ನ ವಿನಯವನ್ನು ನನ್ನ ಹೇಡಿತನವೆಂದು, ಅಸಹಾಯಕತೆ ಎಂದು ಭಾವಿಸುತ್ತಾನೆ. ಇದರಿಂದ ನನಗೆ ಅವಮಾನವಾಗುತ್ತದೆ ಎಂಬ ಭಾವ ಪದೇ ಪದೇ ಮೂಡುತ್ತಿರುತ್ತದೆ.

ಆದರೆ ಅದು ಭ್ರಮೆ. ಅವರು ಯಾರೂ ಏನೂ ನಮ್ಮ ಬಗ್ಗೆ ಹಾಗೆ ಅಂದುಕೊಳ್ಳುವುದಿಲ್ಲ. ಸರಿ, ಒಂದು ವೇಳೆ ಅಂದುಕೊಂಡರೆ, ಅಂದುಕೊಳ್ಳಲಿ ಪರವಾಗಿಲ್ಲ. ನನಗೆ ನಾನು ನನ್ನ ಅರಿಮೆಯಿಂದ ಮುಕ್ತವಾಗಬೇಕು ಎನ್ನುವ ಆಲೋಚನೆಯನ್ನು ಉದ್ದೇಶಪೂರ್ವಕವಾಗಿ ಮಾಡಬೇಕು. ಅದೇ ಪ್ರಜ್ಞೆಯಿಂದ ಅದನ್ನು ಬಲಗೊಳಿಸಿಕೊಳ್ಳಬೇಕು.

ಇನ್ನು ಮೂರನೆಯದಾಗಿ, ಯಾರಲ್ಲೇ ಯಾವುದೇ ಬಗೆಯ ಅರಿಮೆಯನ್ನಾಗಲಿ ಅಥವಾ ಮಾನಸಿಕ ಸಮಸ್ಯೆಯಾಗಲಿ ಕಂಡರೆ ಅವರ ಬಗ್ಗೆ ಅನುಕಂಪವನ್ನು ಹೊಂದಬೇಕು.ಅವರು ವ್ಯತ್ಯಾಸವಾಗಿ ವರ್ತಿಸಿದರೂ ‘ತಿಕ್ಕಲು ತಿಕ್ಕಲಾಗಿ ಆಡಬೇಡ’ ಎಂದೋ, ‘ಯೂ ಆರ್ ವಿಯರ್ಡ್’ ಅಂದರೆ ವಿಲಕ್ಷಣವಾಗಿ ಅಥವಾ ವಿಚಿತ್ರವಾಗಿ ಆಡುತ್ತಿದ್ದೀಯ ಎಂದೋ ಅನ್ನಬಾರದು. ಹೇ, ಯಾಕೆ ಹೇಗೇಗೋ ಒಳ್ಳೆ ದೆವ್ವ ಹಿಡದಂಗೆ, ದೇವರು ಮೈ ಮೇಲೆ ಬಂದಂಗೆ ಆಡ್ತಿದ್ದೀಯಾ, ಹುಚ್ಚು ಹಿಡಿದಿದೆಯಾ? ಪಿತ್ತ ನೆತ್ತಿಗೇರಿದೆಯಾ? ಇತ್ಯಾದಿ ಮಾತುಗಳನ್ನು ರೂಢಿಯಲ್ಲಿ ಆಡುತ್ತಾರೆ. ಅದರಲ್ಲೂ “ನಿನ್ನ ಸಹವಾಸ ಸಾಕಪ್ಪಾ” ಎಂದಂತೂ ಖಂಡಿತ ಅನ್ನಬಾರದು. ಅರಿಮೆಗಳ ಮತ್ತು ಮಾನಸಿಕ ಸಮಸ್ಯೆಗಳ ಬಗ್ಗೆ ಅರಿವು ಇಲ್ಲದವರ ಮಾತುಗಳು ಇವು.

ವೈದ್ಯನು ರೋಗಿಯನ್ನು ದ್ವೇಷಿಸುವುದು ನೈತಿಕವೇ?

ಯಾವ ವ್ಯಕ್ತಿಯೂ ತನ್ನ ಸಂಬಂಧಗಳನ್ನು ಹಾಳು ಮಾಡಿಕೊಳ್ಳಲು ಇಷ್ಟ ಪಡುವುದಿಲ್ಲ. ಅವನಿಗೆ ಆನಂದವೇ ಬೇಕಾಗಿರುವುದು. ತಾನೂ ಮತ್ತು ತನ್ನ ಜೊತೆಗಾರರೆಲ್ಲವೂ ಆನಂದವಾಗಿರಬೇಕೆಂದೇ ಬಯಸುವವನು. ಆದರೆ ಆನಂದ ಪಡೆಯುವ ಅಥವಾ ನೀಡುವ ಬದಲು ತನ್ನ ಮತ್ತು ಇತರರ ಸಂತೋಷವನ್ನು ಹಾಳುಮಾಡುವಂತಹ ಯಾವುದೇ ವರ್ತನೆಯನ್ನು ತೋರಿದರೂ, ಅಲ್ಲಿ ತಿಳಿದುಕೊಳ್ಳಿ, ಆತನಲ್ಲಿ ಅಥವಾ ಆಕೆಯಲ್ಲಿ ಸಮಸ್ಯೆ ಇದೆ ಎಂದು ಸ್ಪಷ್ಟವಾದ ಅರ್ಥ. ಆ ಸಮಸ್ಯೆಯನ್ನು ತಂದುಕೊಂಡಿರುವುದು ಅವರ ತಪ್ಪಲ್ಲ ಅಥವಾ ಅಪರಾಧವಲ್ಲ. ಏಕೆಂದರೆ ಮಾನಸಿಕ ಸಮಸ್ಯೆಗಳು ಅವರಿಗೆ ಅರಿವಿಲ್ಲದಂತೆಯೇ ಅವರಲ್ಲಿ ಇನ್‍ಸ್ಟಾಲ್ ಆಗಿರುತ್ತದೆ.

ಹಾಗೂ ಅವರಂತೂ ಖಂಡಿತ ಕಾರಣರಲ್ಲ. ಅವರಿಗೆ ಸಮಸ್ಯೆ ಇದೆ ಎಂದೇ ಗೊತ್ತಿರುವುದಿಲ್ಲ. ಎಷ್ಟೋ ಬಾರಿ ಅವರ ಸಮಸ್ಯೆಗಳನ್ನು ಅವರ ಸಾಮರ್ಥ್ಯ ಎಂದುಕೊಂಡಿರುತ್ತಾರೆ. ಅವರ ದೌರ್ಬಲ್ಯಗಳನ್ನು ಅವರ ಬಲ ಎಂದುಕೊಂಡಿರುತ್ತಾರೆ. ಹಾಗಾಗಿಯೇ ಅವರು ತಮ್ಮ ಸಮಸ್ಯೆಗಳನ್ನು ಅರಿತುಕೊಳ್ಳದೆಯೇ ಅದರ ಪ್ರಭಾವಗಳನ್ನು ಪ್ರಕಟಗೊಳಿಸುತ್ತಲೇ ಹೋಗುತ್ತಿರುತ್ತಾರೆ. ಅವರಿಗೆ ಗೊತ್ತಾದರೂ ಅವರು ಮುಂದುವರಿಸುತ್ತಿದ್ದಾರೆಂದರೆ ಅದು ಅವರ ನಿಯಂತ್ರಣಕ್ಕೆ ಮೀರಿ ಹೋಗಿದೆ ಎಂದು ಅರ್ಥ. ಅವರಿಗೆ ಅದನ್ನು ನಿಭಾಯಿಸಲು ಆಗುತ್ತಿಲ್ಲ ಎಂದು ಅರ್ಥ.

ಇಡೀ ದೇಶವೇ ಸಾಂಘಿಕವಾಗಿ ತನ್ನ ಎಲ್ಲಾ ಶಕ್ತಿ ಸಾಮರ್ಥ್ಯಗಳನ್ನು ಬಳಸಿಕೊಂಡು ಒಂದು ವೈರಸ್ ವಿರುದ್ಧ ಹೋರಾಡುವಾಗಲೂ ಬಹಳ ಕಷ್ಟಪಡುತ್ತದೆ. ಆಯಾಸಗೊಳ್ಳುತ್ತದೆ. ಸೋತಂತಾಗುತ್ತದೆ. ನಿಭಾಯಿಸಲು ಆಗದೇ ಕೈ ಚೆಲ್ಲುತ್ತದೆ. ವ್ಯವಸ್ಥೆಗಳಲ್ಲಿ ಕಪ್ಪೆಗಳನ್ನು ತಕ್ಕಡಿಗೆ ಹಾಕಿದಂತೆ ಇಲ್ಲಿ ತ್ಯಾಪೆ ಹಾಕಲು ಹೋದರೆ ಅಲ್ಲಿ ಹರಿಯುತ್ತದೆ. ಅಲ್ಲಿ ತ್ಯಾಪೆ ಹಾಕಲು ಹೋದರೆ ಇಲ್ಲಿ ಹರಿಯುತ್ತದೆ.ಹರಕುಗಳು ಎಲ್ಲೆಲ್ಲಿವೆ ಎಂದೇ ತಿಳಿಯದಷ್ಟು ಸೋಂಕುಗಳು ಸೋರುತ್ತಿರುತ್ತವೆ.

ಹಾಗಿರುವಾಗ ಒಬ್ಬ ವ್ಯಕ್ತಿಯು ತನ್ನ ಮನಸ್ಸಿನಲ್ಲಿ ಹೊಕ್ಕಿರುವ ವೈರಸ್ಸುಗಳು ಯಾವುವು ಎಂದೇ ತಿಳಿಯಲು ಸಾಧ್ಯವಾಗದೇ ಒದ್ದಾಡುವುದು, ಯಾವ ಯಾವ ಬಗೆಯ ವೈರಸ್ಸುಗಳು ಎಂದು ಕೂಡಾ ಪತ್ತೆ ಹಚ್ಚಲಾಗದೇ ಹೋಗುವುದು ಏನೂ ಹೆಚ್ಚಲ್ಲ. ಅಪರಾಧವೂ ಅಲ್ಲ. ಆದರೆ ಪ್ರಾಮಾಣಿಕವಾದ ಪ್ರಯತ್ನವನ್ನು ಮಾಡದೇ ಹೋಗುವುದು ಅಮಾನವೀಯ. ತಿಳುವಳಿಕೆಯನ್ನು ಪಡೆಯುವುದಕ್ಕೂ ಮುಂದಾಗದೇ ತನ್ನ ಹಟಮಾರಿತನದಲ್ಲಿ ಅಡಗಿಕೊಳ್ಳುವುದು ಅಜ್ಞಾನ.

ವೈದ್ಯನು ರೋಗಿಯ ಮೇಲೆ ಕೋಪಗೊಂಡರಾದೀತೇ? ವೈದ್ಯನ ಕಾಯಕವೇ ರೋಗವನ್ನು ಗುಣಪಡಿಸುವುದಾಗಿದ್ದು, ರೋಗಿಷ್ಟನಾಗಿದ್ದಾನೆಂದು ರೋಗಿಯನ್ನು ದ್ವೇಷಿಸುವುದು ನೈತಿಕವೇ? ಹಾಗೆಯೇ ಮನಸ್ಸಿನ ವಿಚಾರಗಳಲ್ಲಿ, ವರ್ತನೆ ಮತ್ತು ಸಂಬಂಧಗಳ ನಿರ್ವಹಣೆಗಳಲ್ಲಿ ಎಲ್ಲರೂ ಅರಿವುಳ್ಳವರಾಗಬೇಕು ಮತ್ತು ತಮ್ಮೊಡನೆ ವ್ಯತ್ಯಾಸವಾಗಿ ವರ್ತಿಸುವವರ ಮೇಲೆ ಅನುಕಂಪದಿಂದ ಅವರಿಗೆ ಸುಧಾರಿಸಿಕೊಳ್ಳಲು ನೆರವಾಗಬೇಕು. ಅವರು ಸುಧಾರಿಸಿಕೊಳ್ಳಲಾಗಲಿಲ್ಲವೆಂದರೆ ನಮ್ಮ ನೈಪುಣ್ಯಕೆ ಸವಾಲು ಎಂದು ಮತ್ತಷ್ಟು ಮಗದಷ್ಟು ಜ್ಞಾನ, ಪ್ರಜ್ಞೆ ಮತ್ತು ತಂತ್ರಗಳಿಂದ ನಿಪುಣರಾಗಲು ಯತ್ನಿಸಬೇಕು. ನೆಗಡಿ ಬಂದಿದೆ ಎಂದು ಮೂಗು ಕುಯ್ದುಕೊಳ್ಳುವುದೇ?

ಅಪರಾಧಿಗಳ ನಿರ್ಮಾತರು

ಕೆಟ್ಟದಾಗಿ ವರ್ತಿಸುವವನು, ಕೆಟ್ಟ ಕೆಲಸ ಮಾಡುವವನು, ಕೆಟ್ಟ ಮಾತುಗಳನ್ನು ಆಡುವವನು ಕೆಟ್ಟವನಲ್ಲವೇ? ದುಷ್ಟ ಎಂಬುವನು ಯಾರೂ ಇಲ್ಲವೇ? ಹಾಗಿದ್ದ ಮೇಲೆ ಯಾರನ್ನು ನಾವು ದುಷ್ಟರೆನ್ನಬೇಕು? ಯಾರನ್ನು ಕೆಟ್ಟವರೆನ್ನಬೇಕು? ಅಪರಾಧಿಗಳು ಎನ್ನುವವರು ಯಾರು ಎಂದು ಕೇಳಿದರೆ, ನನ್ನ ಉತ್ತರ ‘ಯಾರೂ ಇಲ್ಲ.’
Criminals are not born but they are made ಎಂಬ ಮಾತು ನಮಗೆ ಗೊತ್ತು. ಎಲ್ಲಾ ತಾಯಂದಿರೂ ಏನೂ ಅರಿಯದ ಮುಗ್ಧ ಶಿಶುವಿಗೇ ಜನ್ಮ ನೀಡುವುದು. ಯಾವ ತಾಯಿಯೂ ಅಪರಾಧಿ ಶಿಶುವನ್ನು ಹೆರುವುದಿಲ್ಲ. ಆದರೆ ಆ ಮಗುವು ಅಪರಾಧಿಯಾಗಿ ಮುಂದೆ ರೂಪುಗೊಳ್ಳುವುದು.

ಹಾಗೆ ರೂಪಿಸುವುದಾದರೂ ಯಾರು? ಕುಟುಂಬ, ಪರಿಸರ, ಸಮಾಜ, ವ್ಯವಸ್ಥೆ, ಸಂಸ್ಕೃತಿ ಇತ್ಯಾದಿ ಆ ಮಗುವಿನ ಮೇಲೆ ಪ್ರಭಾವ ಬೀರುವ ಪ್ರಮುಖ ಅಂಶಗಳು. ಆದರೆ ಆ ತಪ್ಪನ್ನು ಒಪ್ಪಿಕೊಳ್ಳಲು ಸಿದ್ಧವಿಲ್ಲದ ನಾವು ಹೇಳುವುದಾದರೂ ಏನು? ನಾವು ಎಷ್ಟು ಒಳ್ಳೆ ಮಾತು ಹೇಳಿದರೂ ಅವನು ಅಥವಾ ಅವಳು ಕೇಳುವುದಿಲ್ಲ ಎಂದು ದೂರುತ್ತೇವೆ. ಇನ್ನೂ ಸುಲಭವಾಗಿ ಅವನ ಅಥವಾ ಅವಳ ಹಣೆಬರಹವೇ ಆಗಿತ್ತು ಎನ್ನುತ್ತೇವೆ.

ಹಿಂದೆ ಮಾಡಿದ ಕರ್ಮ ಹೀಗೆ ಕಾಡುತ್ತಿದೆ ಎಂದೋ, ಯಾರೋ ಮಾಟ ಮಂತ್ರ ಮಾಡಿಸಿದ್ದಾರೆ ಎಂದೋ, ಅವರ ಹುಟ್ಟಿದ ಗಳಿಗೆಯೇ ಹಾಗಿತ್ತು, ಜಾತಕದಲ್ಲಿ ಚೆನ್ನಾಗಿಲ್ಲ, ಗ್ರಹಗತಿ ಚೆನ್ನಾಗಿಲ್ಲ; ಹೀಗೆ ಹತ್ತು ಹಲವು ನೆಪಗಳನ್ನು ತೋರುತ್ತಿರುತ್ತೇವೆ, ಇದಕ್ಕೆ ಕಾರಣ ನಾನಲ್ಲ ಎಂದು ಹೊಣೆಗಾರಿಕೆಯನ್ನು ಕೊಡವಿಕೊಳ್ಳಲು.

ಒಂದು ಮಗುವಿನ ವ್ಯಕ್ತಿತ್ವದ ರೂಪುಗೊಳ್ಳುವಿಕೆಯಲ್ಲಿ, ವರ್ತನೆಯಳನ್ನು, ಆಲೋಚನೆಗಳನ್ನು ರೂಢಿಗೊಳಿಸುವಲ್ಲಿ ಕುಟುಂಬ, ಸಮಾಜ, ವ್ಯವಸ್ಥೆ ಮತ್ತು ಶಿಕ್ಷಣ ಎಲ್ಲವೂ ವಿಫಲವಾಗಿರುವ ಸ್ಪಷ್ಟ ಕುರುಹೇ ಅಪರಾಧಗಳಿಂದ ಕೂಡಿರುವ ಸಮಾಜ. ಯಾರೂ ಯಾರನ್ನೂ ದೂರುವುದು ಬೇಕಾಗಿಲ್ಲ. ಇದು ಸಾಂಘಿಕ ವೈಫಲ್ಯ. ನಾವು ಸಾಮೂಹಿಕ ಜವಾಬ್ದಾರಿಯನ್ನು ಹೊರಬೇಕು. ಎಲ್ಲರಿಗೂ ಅವರವರ ಹೊಣೆಗಾರಿಕೆಗಳಿವೆ.ಈ ಎಚ್ಚರಿಕೆಯನ್ನು ಹೊಂದಿದ್ದು, ಜಾಗೃತರಾಗಿ ಕೆಲಸ ಮಾಡುವುದಾದರೆ ಮಾತ್ರ ಒಂದಿಷ್ಟಾದರೂ ಮುಂದಿನ ಅವಘಡಗಳನ್ನು ತಪ್ಪಿಸಬಹುದು.

ಕೆಟ್ಟದ್ದು ಮತ್ತು ಒಳ್ಳೆಯದು ಎನ್ನುವುದೇ ಅವರವರ ಪರಿಕಲ್ಪನೆ. ಅವರವರ ಆಲೋಚನೆ, ಆಸಕ್ತಿ ಮತ್ತು ಇಷ್ಟಗಳ ಆಧಾರದ ಮೇಲೆ ಯಾರು ಒಳ್ಳೆಯವರು, ಯಾರು ಕೆಟ್ಟವರು ಎಂದು ಆಲೋಚಿಸುತ್ತಾರೆ. ಯಾವುದು ಒಳ್ಳೆಯದು, ಯಾವುದು ಕೆಟ್ಟದು ಎಂದು ನಿರ್ಧರಿಸುತ್ತಾರೆ. ಅದರಂತೆಯೇ ವ್ಯಕ್ತಿಗಳನ್ನೂ, ಸಿದ್ಧಾಂತಗಳನ್ನೂ ಮತ್ತು ವ್ಯವಸ್ಥೆಗಳನ್ನೂ ದೂರುತ್ತಾರೆ ಅಥವಾ ಪ್ರಶಂಸಿಸುತ್ತಾರೆ. ಹಾಗಾಗಿಯೇ ಇಷ್ಟೊಂದು ಸಂಘರ್ಷ ಮತ್ತು ದೌರ್ಜನ್ಯಗಳು ಇರುವುದು.

ಒಬ್ಬ ಅಥವಾ ಎಲ್ಲರೂ ಮಾನಸಿಕವಾಗಿ ಉಲ್ಲಾಸದಿಂದ ಆನಂದದಿಂದ ಇರಬೇಕೆಂದರೆ ಎಂತಹ ಮನೋಭಾವವನ್ನು ಹೊಂದಿರಬೇಕೆಂದರೆ, ‘ಮೂಲಭೂತ ಅಗತ್ಯಗಳನ್ನು ಪೂರೈಸಿಕೊಂಡು ನಾನು ನನ್ನವರೊಂದಿಗೆ ಚೆನ್ನಾಗಿರಬೇಕು. ಆನಂದವಾಗಿರಬೇಕು. ಹಾಗೆಯೇ ಇತರರೂ ಚೆನ್ನಾಗಿರಬೇಕು. ಆನಂದವಾಗಿರಬೇಕು. ಇಷ್ಟೇ ನಾವು ಒಳ್ಳೆಯದು ಅಥವಾ ಕೆಟ್ಟದು ಎಂಬ ಎಲ್ಲಾ ಸಿದ್ಧಾಂತಗಳನ್ನೂ ಮೀರಿ ಇರಬೇಕಾಗಿರುವ ಮೂಲ ಮನೋಭಾವ. ಇದಕ್ಕೆ ಮೀರಿ ಸಂಗತಿಗಳು ನಮ್ಮಲ್ಲಿ ಮತ್ತು ಸುತ್ತಮುತ್ತಲೂ ಘಟಿಸುತ್ತಿರುವುದರಿಂದ ಕ್ಷಮೆ, ಕರುಣೆ, ಔದಾರ್ಯ, ವಿನಯ, ಕೃತಜ್ಞತೆ ಇತ್ಯಾದಿ ಪರಿಕಲ್ಪನೆಗಳು ನಿರ್ವಹಣಾ ತಂತ್ರಗಳಾಗಿ (ಮೇನೇಜ್ಮೆಂಟ್ ಟೆಕ್ನಿಕ್ಸ್) ಬೇಕಾಗಿರುವುದು.

ಅರಿಮೆಗಳೆಲ್ಲಾ ರೋಗಗಳೇನಲ್ಲ

ನಾನು ಚೆನ್ನಾಗಿದ್ದು ನನ್ನೊಡನೆ ಇರುವವರು ಚೆನ್ನಾಗಿರಲಿಲ್ಲವೆಂದರೂ ಕೆಲವರಲ್ಲಿ ಕೀಳರಿಮೆ ಕಾಡುತ್ತದೆ. ಅದಕ್ಕೆ Successor ಅಥವಾ Survivor Guilt ಎನ್ನುತ್ತೇವೆ. ನೀವು ಜೀವನ ನಿರ್ವಹಣೆಗೆ ಅಗತ್ಯವಿರುವಂತಹ ಜೀವನೋಪಾಯಕ್ಕೆ ಮಾರ್ಗ ಕಂಡುಕೊಂಡಿರುತ್ತೀರಿ. ಆರ್ಥಿಕತೆಯಲ್ಲಿ ಸ್ವಾವಲಂಬಿಯಾಗಿರುತ್ತೀರಿ. ಆದರೆ ನಿಮ್ಮ ತಮ್ಮನೋ ಅಥವಾ ಅಣ್ಣನೋ ಅಥವಾ ಇನ್ನಾದರೂ ಗೆಳೆಯರೋ ನಿಮಗೆ ಆತ್ಮೀಯವಾಗಿ, ಬದುಕಿನಲ್ಲಿ ಆಪ್ತವಾಗಿರುವವರು ಪರಾವಲಂಬಿಯಾಗಿರುತ್ತಾರೆ. ಆರ್ಥಿಕವಾಗಿ ಮುನ್ನೆಲೆಗೆ ಬಂದಿರುವುದಿಲ್ಲ. ತೊಂದರೆಯಲ್ಲಿ ಬಳಲುತ್ತಿರುತ್ತಾರೆ. ಆಗ ನಿಮಗೆ ಈ ಅಪರಾಧ ಪ್ರಜ್ಞೆ ಕಾಡಬಹುದು.

ನಮ್ಮ ಆಪ್ತರ ಹೆಂಡತಿ ತೀರಿ ಹೋಗಿದ್ದು, ಅವರು ಸಂಸಾರ ನಿರ್ವಹಣೆಯಲ್ಲಿ ಸಮಸ್ಯೆ ಎದುರಿಸುತ್ತಿದ್ದರೆ, ನಾನು ನನ್ನ ಹೆಂಡತಿಯೊಡನೆ ಸುಖವಾಗಿ ಸಂಸಾರ ನಡೆಸುವುದಕ್ಕೆ ಕಸಿವಿಸಿ ಎನ್ನಿಸುವ ಭಾವವೂ ಕೂಡಾ ಈ ಅರಿಮೆಯೇ. ಸ್ಥಾನಮಾನ, ಹೆಚ್ಚಿನ ಅಂಕ, ಉತ್ತಮವಾದ ಮನೆ; ಹೀಗೆ ಯಾವ ವಿಷಯಕ್ಕಾದರೂ ನಮ್ಮಲ್ಲಿ ನಮಗೆ ಆಪ್ತರಾಗಿರುವವರಿಗಿಂತ ಹೆಚ್ಚಾಗಿದ್ದರೆ ಈ ಅರಿಮೆಯು ಬರಬಹುದು.

ಇದಕ್ಕೆ ಮಾಡಬೇಕಾದುದೇನು? ಮುಖ್ಯವಾಗಿ ನಾವು ಯಾರ ಬಗ್ಗೆ ಹಾಗೆ ಯೋಚಿಸುತ್ತಿರುತ್ತೇವೆಯೋ ಅವರಿಗೆ ಆ ರೀತಿಯಲ್ಲಿ ನಮ್ಮ ಬಗ್ಗೆ ಭಾವನೆಗಳಿರುವುದಿಲ್ಲ ಎಂಬುದನ್ನು ಆಲೋಚಿಸಬೇಕು. ಹಾಗೆಯೇ, ನಾವು ಉದ್ದೇಶಪೂರ್ವಕವಾಗಿ ನಮ್ಮ ಏಳ್ಗೆಯನ್ನು ಕೆಳಗಿಳಿಸಿಕೊಳ್ಳದೇ ಅವರಿಗೆ ನೆರವಾಗಬೇಕು, ನಮ್ಮ ಅಹಂಕಾರವು ಎಂದಿಗೂ ಅವರಿಗೆ ನೋವನುಂಟು ಮಾಡಬಾರದು ಎಂಬ ಪ್ರಜ್ಞೆಯನ್ನು ಸದಾ ಎಚ್ಚರದಲ್ಲಿಟ್ಟುಕೊಂಡಿರಬೇಕು. ನಮ್ಮ ಏಳ್ಗೆಗೆ ಕಾರಣವಾಗಿರುವ ಅಂಶಗಳನ್ನು ಗುರುತಿಸಿಕೊಂಡು ಅವರಲ್ಲಿ ಕೊರತೆಯಾಗಿರುವ ಅಂಶಗಳನ್ನು ಪೂರೈಸುವ ಅಥವಾ ನೆರವಾಗುವ ಮೂಲಕ ಈ ಬಗೆಯ ಅಪರಾಧದ ಅರಿಮೆಯನ್ನು ತೊಡೆದುಕೊಳ್ಳಬಹುದು.

ಇಲ್ಲಿ ನಾವು ಗಮನಿಸಬೇಕಾಗಿರುವ ವಿಷಯವೆಂದರೆ ಎಲ್ಲಾ ಅರಿಮೆಗಳೂ ಮಾನಸಿಕವಾಗಿರುವುದಾದರೂ ಅವೆಲ್ಲವೂ ಮಾನಸಿಕ ಸಮಸ್ಯೆ ಆಗಿರಲೇ ಬೇಕೆಂದಿಲ್ಲ. ಅಪರಾಧ ಪ್ರಜ್ಞೆಯಂತಹ ಅರಿಮೆಗಳು ವ್ಯಕ್ತಿಯ ಮತ್ತು ಸಮಾಜದ ಸ್ವಾಸ್ಥ್ಯಕ್ಕೆ ಅನುಕೂಲಕರವಾಗಿಯೂ ಪರಿಣಮಿಸಲು ಸಾಧ್ಯ. ಒಟ್ಟಾರೆ, ತನ್ನ ತಾನು ತಿಳಿಯುವ ನಿಟ್ಟಿನಲ್ಲಿ ಕೆಲಸ ಮಾಡಿದರೆ, ಸಹಜವಾಗಿ ತನ್ನ ವರ್ತನೆ ಮತ್ತು ಪ್ರತಿಕ್ರಿಯೆಗಳನ್ನು ತಿಳಿಯಲು ಸಾಧ್ಯವಾಗುತ್ತದೆ. ಅದರ ಮೂಲಕ ತಾನು ಯಾವ ಬಗೆಯ ಅರಿಮೆಗೆ ಒಳಗಾಗಿದ್ದೇನೆ ಮತ್ತು ಅದರಿಂದ ಹೊರಗೆ ಬರಲು ಏನು ಕೆಲಸ ಮಾಡಬೇಕು ಎಂಬುವುದರ ಬಗ್ಗೆ ಸಕಾರಾತ್ಮಕವಾಗಿ ಕೆಲಸ ಮಾಡಲು ಕೂಡಾ ಸಾಧ್ಯವಾಗುತ್ತದೆ. ಅದು ವ್ಯಕ್ತಿಗೂ ಹಿತವೇ, ಸಮಾಜಕ್ಕೂ ಹಿತವೇ.

(ಮುಂದುವರಿಯುವುದು)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ

ಕವಿತೆ | ದೇವರ ಹೂವು

Published

on

~ ಡಾ. ಸಿ.ಬಿ.ಐನಳ್ಳಿ

ಊಟ ಮಾಟ ವೇಷ ಭಾಷೆ
ಪ್ರಾರ್ಥನೆ ಬೇರೆ ಬೇರೆ
ಪವಿತ್ರಪಠ್ಯ ಅವನದೊಂದು
ನನ್ನದಿನ್ನೊಂದಂತೆ

ನದಿ ದಂಡೆಯ ಮೇಲೆ
ನೋಟ ಬೆರೆತು ಮಾತು ಮರೆತು
ಮೈತ್ರಿ ಮೊಳೆಯಿತು
ಎಷ್ಟು ಬಿಗಿದಪ್ಪಿಕೊಂಡರೂ
ಉಳಿಯುತ್ತಿತ್ತು ನಡುವೆ ಸಣ್ಣ ಪೊಳ್ದಾಣ

ಹೂದೋಟದ ದುಂಬಿ ಸತತ ಮೂರು
ವಸಂತದ ಗಾಳಿ ಅಣಕಿಸಿದಾಗ
ಪರಾಗಸ್ಪರ್ಶಕೆ ಹೊಸ ಹೂವೊಂದು
ಅರಳಿ ನಿಂತಿತು
ಪೊಳ್ಳಿನ ನೆನಪೇ ಮಾಯವಾಗಿದೆ

ಎಳೆ ಹೂವು ಮೈಮರೆತು
ಹಾಡಿ ಓಡಿ ನಲಿಯುತಿದೆ
ಧರ್ಮ ನನ್ನ ಕಣ್ಣೊಳಗೆ ಜಿನುಗಿ
ಹನಿಯಾಗಿ ಜಾರುತಿದೆ

ಕವಿ ಪರಿಚಯ : ಡಾ. ಸಿ.ಬಿ.ಐನಳ್ಳಿ, ಸಹಾಯಕ ಪ್ರಾಧ್ಯಾಪಕರು, ಇಂಗ್ಲೀಷ್ ವಿಭಾಗ, ಕರ್ನಾಟಕ ಕಲಾ ಮಹಾವಿದ್ಯಾಲಯ, ಧಾರವಾಡ

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ಅಂಕಣ

ಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ

Published

on

~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ

ಅಂಬೇಡ್ಕರ್ ಅವರು ಭಾರತದ ಚರಿತ್ರೆಗಳ ರಚನೆಗೆ ಪ್ರಾಯೋಗಿಕ ಉಪಕರಣಗಳನ್ನು (ಎಂಪರಿಕಲ್ ಟೂಲ್ಸ್) ಬಳಸಿರುತ್ತಾರೆ. ಆದರೆ ಈ ಎಲ್ಲ ಉಪಕರಣಗಳು ಕೇವಲ ಚರಿತ್ರೆಯ ರಚನೆಗೆ ಮಾತ್ರ ಕಾರಣವಾಗದೆ, ಸಮೂಹಗಳ ಸಾಮಾಜಿಕ-ರಾಜಕೀಯ ಸಮಾನತೆ, ಸ್ವಾಯತ್ತತೆಯನ್ನೂ ಕಲ್ಪಿಸುವುದಕ್ಕೂ ಬದ್ಧವಾಗಿರುತ್ತವೆ. ಆರ್ಥಿಕತೆಯ ನಿಲುವುಗಳ ಮೂಲಕ ಭಾರತದ ಚರಿತ್ರೆಯನ್ನು ವ್ಯಾಖ್ಯಾನಿಸುವ ಕ್ರಮಗಳನ್ನು ಅಂಬೇಡ್ಕರ್ ಅವರು ಅತ್ಯಂತ ಕಟುವಾಗಿಯೇ ವಿಮರ್ಶಿಸುತ್ತಾರೆ.

ಸಮಾಜವಾದಿಗಳು ಮತ್ತು ಮಾರ್ಕ್ಸ್ವಾದಿಗಳು ಆರ್ಥಿಕತೆಯ ನೆಲೆಯಿಂದ ಭಾರತದಲ್ಲಿ ಚರಿತ್ರೆಗಳನ್ನು ನಿರ್ವಚಿಸುವ ಪ್ರಯತ್ನವನ್ನು ಮಾಡಿರುತ್ತಾರೆ ಎನ್ನುವುದನ್ನು ಇಲ್ಲಿ ಗಮನಿಸಬಹುದು. ಭಾರತದ ಚರಿತ್ರೆಗಳಲ್ಲಿ ದಾಖಲಾಗಿರುವ ಯಾವುದೇ ರಾಜಕೀಯ ಕ್ರಾಂತಿ/ಹೋರಾಟಗಳು ಯಾವಾಗಲೂ ಸಾಮಾಜಿಕ-ಧಾರ್ಮಿಕ ಕ್ರಾಂತಿಗಳಿಂದ ಮಾತ್ರ ಕೂಡಿರುವುದನ್ನೂ ಅಂಬೇಡ್ಕರ್ ಅವರು ಇಲ್ಲಿ ಗುರುತಿಸುತ್ತಾರೆ. ಭಾರತದಲ್ಲಿ ಅಷ್ಟೆಯಲ್ಲ, ಅಮೆರಿಕ, ಯುರೋಪ್, ಅರೇಬಿಯಾ ದೇಶಗಳಲ್ಲಿಯೂ ಇದೇ ಬಗೆಯ ಚರಿತ್ರೆಯ ನಿರ್ಮಾಣವು ನಡೆದಿರುವುದನ್ನು ನೋಡುತ್ತೇವೆ. ಮತ್ತು ಶಿವಾಜಿ, ಚಂದ್ರಗುಪ್ತ ಮೌರ್ಯ, ಸಿಖ್ ರಾಜ್ಯಗಳ ರಾಜರುಗಳಿಂದ ಕೈಗೊಳ್ಳಲಾದ ರಾಜಕೀಯ ಕ್ರಾಂತಿಗಳು, ಬುದ್ಧ, ಗುರು ನಾನಕ್ ಹಾಗೂ ಇತರ ಸಾಧು ಸಂತರ ಸಾಮಾಜಿಕ, ಧಾರ್ಮಿಕ ಚಳವಳಿಗಳ ಮೂಲಕ ಕಂಡಿರುತ್ತೇವೆ.

ಆದರೆ ಪರಿಣಾಮಗಳಲ್ಲಿ ಅಗಾಧವಾದ ವ್ಯತ್ಯಾಸಗಳನ್ನೂ ನಾವು ಇವತ್ತು ಕಾಣುತ್ತೇವೆ ಹಾಗೂ ಭಾರತದ ಚರಿತ್ರೆಗಳನ್ನು ಕುರಿತು ಬ್ರಿಟಿಶರು ತಾಳಿರುವ ಧೋರಣೆಗಳು ಅತ್ಯಂತ ದೋಷಪೂರಿತ ನೆಲೆಗಳಿಂದ ಕೂಡಿದ್ದವು ಎಂಬುದನ್ನು ಅಂಬೇಡ್ಕರ್ ಅವರು ಅತ್ಯಂತ ಬಲವಾಗಿ ನಂಬಿದ್ದರು. ಮತ್ತು ಅವುಗಳನ್ನು ಬಿಡಿಸಿ ತೋರಿಸುವುದಕ್ಕೆ ಬೇಕಾದ ಪರಿಕರಗಳನ್ನೂ ತಮ್ಮ ಅಧ್ಯಯನಗಳ ಮೂಲಕ ರೂಪಿಸಿರುತ್ತಾರೆ.

ಭಿನ್ನ ಸಂವೇದನೆಯ ಮೂಲಕ ಭಾರತವನ್ನು ಗ್ರಹಿಸಿದ ಅಂಬೇಡ್ಕರ್ ಚಿಂತನೆಗಳು ಹಾಗೂ ಸಾಮಾಜಿಕವಾಗಿ ಅತ್ಯಂತ ಸೂಕ್ಷ್ಮ ನಿಲುವುಗಳಾಗಿ ಯಾವತ್ತಿಗೂ ಚರ್ಚೆಗೆ ಒಳಪಡುತ್ತಿರುವ ‘ಅಲ್ಪಸಂಖ್ಯಾತರು’ ‘ಲಿಂಗ’ ಹಾಗೂ ‘ಜಾತಿ’ಗಳ ನಡುವೆ ಒಂದು ಬಗೆಯ ತಾರ್ಕಿಕ ನಂಟನ್ನು ಏರ್ಪಡಿಸಬಹುದು. ರಾಷ್ಟ್ರೀಯತೆಯ ಜೊತೆಗೆ ಅಲ್ಪಸಂಖ್ಯಾತರು, ಲಿಂಗ ಹಾಗೂ ಜಾತಿಯ ವಿನ್ಯಾಸಗಳನ್ನು ಇಟ್ಟು ನೋಡಿದರೆ, ರಾಷ್ಟ್ರೀಯತೆ ಎನ್ನುವುದು ಕೇವಲ ಏಕಾಕೃತಿಯ ನೆಲೆಯನ್ನಾಗಿ ಬಿಂಬಿಸಲಾಗುತ್ತದೆ. ಇಂತಹ ಏಕಾಕೃತಿ ನಿಲುವುಗಳನ್ನು ಭಗ್ನ ಮಾಡುವ ಅತ್ಯಂತ ಪ್ರಖರವಾದ ಚಿಂತನೆಗಳನ್ನು, ಅಲ್ಪಸಂಖ್ಯಾತ, ಲಿಂಗ, ಜಾತಿ ಮತ್ತು ಧರ್ಮಗಳ ವಿನ್ಯಾಸಗಳನ್ನು ನೆಲೆಯಾಗಿಸಿಕೊಂಡು ಅಂಬೇಡ್ಕರ್ ಅವರು ಚಿಂತಿಸಿರುತ್ತಾರೆ. ಹಾಗೂ ಈ ಚಿಂತನೆಗಳ ಮುಖೇನವೇ ಸಾಂಸ್ಕೃತಿಕ-ಚಾರಿತ್ರಿಕ ಬಹುಳತೆಯನ್ನು ಕಂಡರಿಸುವ ದಾರಿಗಳನ್ನೂ ಅವರ ಚಿಂತನೆಗಳಲ್ಲಿ ಕಾಣಬಹುದಾಗಿದೆ.

ಅಂದರೆ ಅಂಬೇಡ್ಕರ್ ಅವರ ಸೈದ್ಧಾಂತಿಕ ತಿಳಿವಿನ ಚೌಕಟ್ಟನ್ನು ಅರಿಯಬೇಕೆಂದರೆ, ಅವರು ಫ್ರೆಂಚ್ ಕ್ರಾಂತಿಯಿಂದ ಎರವಲು ಪಡೆದಿರುವ ಸಾಮಾಜಿಕ-ರಾಜಕೀಯ ‘ತ್ರಿಕೂಟ’ (ಟ್ರಿನಿಟಿ) ಪರಿಕಲ್ಪನೆಗಳನ್ನು ಇಲ್ಲಿ ನಾವು ಪರಿಗಣನೆಗೆ ತೆಗೆದುಕೊಳ್ಳುವ ಅಗತ್ಯವಿದೆ. ‘ಸ್ವಾತಂತ್ರ್ಯ, ಸಮಾನತೆ ಹಾಗೂ ಸಹೋದರತ್ವ’ ಎಂಬುದಾಗಿ ಈ ತ್ರಿಕೂಟ ಪರಿಕಲ್ಪನೆಗಳನ್ನು ಗುರುತಿಸಬಹುದು.

ಫ್ರೆಂಚ್ ಕ್ರಾಂತಿಯ ನಿಲುವುಗಳನ್ನು ಕುರುಡಾಗಿ ಅನುಕರಿಸುವುದಾಗಲೀ ಇಲ್ಲವೇ ಆ ಕ್ರಾಂತಿಯ ನಿಲುವುಗಳನ್ನು ಯಥಾವತ್ತಾಗಿ ಪಾಲಿಸುವುದಾಗಲೀ ಅಂಬೇಡ್ಕರ್ ಅವರ ಉದ್ದೇಶವಾಗಿರಲಿಲ್ಲ. ಆದರೆ ಈ ಕ್ರಾಂತಿಯಿಂದ ಪ್ರೇರಣೆಯನ್ನು ಮಾತ್ರ ಪಡೆದುಕೊಂಡಿರುತ್ತಾರೆ. ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳನ್ನು ಮರುಪರೀಕ್ಷಿಸುವುದು ಅಷ್ಟೆಯಲ್ಲದೆ ಅವುಗಳನ್ನು ಮರು ವಿನ್ಯಾಸಗೊಳಿಸಿರುವುದನ್ನೂ ಇಲ್ಲಿ ನೋಡಬಹುದು. ಅಂದರೆ, ಫ್ರೆಂಚ್ ಕ್ರಾಂತಿಯ ಸನ್ನಿವೇಶಕ್ಕಿಂತ ಮಿಗಿಲಾದ ಸಾಮಾಜಿಕ-ಸಾಂಸ್ಕೃತಿಕ ಆಯಾಮ ಮತ್ತು ಅರ್ಥಗಳನ್ನು ಅಂಬೇಡ್ಕರ್ ಅವರು ಈ ಪರಿಕಲ್ಪನೆಗಳಿಗೆ ಕೊಟ್ಟಿರುತ್ತಾರೆ.

ಜಾತಿಕೇಂದ್ರಿತವಾದ ಭಾರತ ದೇಶವು ವರ್ಗಕೇಂದ್ರಿತವಾದ ಫ್ರೆಂಚ್ ದೇಶಕ್ಕಿಂತ ಸಹಜವಾಗಿಯೇ ಭಿನ್ನವಾಗಿದೆ. ಈ ಸಾಮಾಜಿಕ ವಿನ್ಯಾಸಕ್ಕೆ ಅನುಗುಣವಾಗಿಯೇ ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳ ತಾತ್ವಿಕತೆಯನ್ನು ರೂಪಿಸಿರುತ್ತಾರೆ. ಸಮೂಹಗಳ ಒಳ್ಳೆಯ ಬದುಕಿಗೆ ಈ ತ್ರಿಕೂಟಗಳು ಅತ್ಯಂತ ಅವಶ್ಯವೆಂಬುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು (ರೊಡ್ರಿಗಸ್, 2002). ಚರಿತ್ರೆಯ ನಿರ್ಮಾಣದಲ್ಲಿ ಹಾಗೂ ಸಾಮಾಜಿಕ ಬದುಕುಗಳನ್ನು ಕಟ್ಟಿಕೊಳ್ಳುವಲ್ಲಿ ಈ ಸಮಾನತೆ, ಸ್ವಾತಂತ್ರ್ಯ ಹಾಗೂ ಸಹೋದರತ್ವವು ಎಷ್ಟೊಂದು ಮಹತ್ವದ ಪಾತ್ರವನ್ನು ವಹಿಸಬಲ್ಲವು ಎನ್ನುವುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು.

ಅಂಬೇಡ್ಕರ್ ಅವರು ಗಾಂಧಿ ಮತ್ತು ಕಾಂಗ್ರೇಸ್ ಸಂಘಟನೆಯನ್ನು ಕುರಿತು ‘ವ್ಹಾಟ್ ಗಾಂಧಿ ಆ್ಯಂಡ್ ಕಾಂಗ್ರೇಸ್ ಹ್ಯಾವ್ ಡನ್ ಟು ದ ಅನ್ಟಚೇಬಲ್ಸ್’ ಎಂಬ ಬರಹದಲ್ಲಿ ಸಮೂಹಗಳ ಏಳ್ಗೆಯ ನೆಲೆಯಿಂದ ವಿಶ್ಲೇಷಣೆ ಮಾಡಿರುತ್ತಾರೆ. ಅಂದರೆ ಸ್ವಾತಂತ್ರ್ಯ, ಸಮಾನತೆ ಮತ್ತು ಸಹೋದರತ್ವದಂತಹ ತ್ರಿಕೂಟ ಕಲ್ಪನೆಗಳು ಸಮೂಹಗಳ ಅಸ್ತಿತ್ವ, ಅಸ್ಮಿತೆ ಹಾಗೂ ಪ್ರಜ್ಞೆಯನ್ನು ಕುರಿತು ಮಾತ್ನಾಡಿದರೆ, ಕಾಂಗ್ರೆಸ್ ಸಂಘಟನೆಯು ರಾಷ್ಟ್ರೀಯತೆಯ ಕಲ್ಪನೆಯ ಬಗೆಗೆ ಮಾತ್ರ ಹೆಚ್ಚು ಕಾಳಜಿಯನ್ನು ವಹಿಸಿರುವುದನ್ನು ಇಲ್ಲಿ ನೋಡುತ್ತೇವೆ. ಆದರೆ ಗಾಂಧೀಜಿಯವರು ಸಾಂಪ್ರದಾಯಿಕ ರಾಷ್ಟ್ರೀಯತೆಯನ್ನು ಕುರಿತು ಯೋಚಿಸಿದರೆ, ನೆಹರೂ ಅವರು ಸಮಾಜವಾದದ ನೆಲೆಯಿಂದ ರಾಷ್ಟ್ರೀಯತೆಯ ಪ್ರಜ್ಞೆಯನ್ನು ರೂಪಿಸುವ ತುಡಿತವನ್ನು ಹೊಂದಿದ್ದರು. ಒಟ್ಟಾರೆ ರಾಷ್ಟ್ರೀಯತೆ ಬಗೆಗಿನ ನಿಲುವುಗಳಲ್ಲಿ ಬಹುಸಮಾಜಗಳು ಎದುರಿಸುವ ಸಾಮಾಜಿಕ-ರಾಜಕೀಯ ಬಿಕ್ಕಟ್ಟುಗಳು ಮಹತ್ವವನ್ನು ಪಡೆಯದೆ, ಕೇವಲ ರಾಷ್ಟ್ರ ಮತ್ತು ರಾಷ್ಟ್ರೀಯತೆಯ ಕುರಿತಾದ ಮೌಲ್ಯಗಳು ಮಾತ್ರ ಮುಂಚೂಣಿಗೆ ಬರುತ್ತವೆ.

ಹಾಗಾಗಿ ಭಾರತದ ಚರಿತ್ರೆಗಳಲ್ಲಿ ರಾಷ್ಟ್ರ, ರಾಷ್ಟ್ರ ಪ್ರಭುತ್ವ ಹಾಗೂ ರಾಷ್ಟ್ರೀಯತೆಗಳ ಮಹತ್ವ ಮತ್ತು ಹಿರಿಮೆಯ ಬಗೆಗಿರುವ ಕಾಳಜಿಗಳು, ಸಾಮಾಜಿಕ ಚರಿತ್ರೆಯನ್ನು ಬಿಂಬಿಸುವಲ್ಲಿ ಗೈರು ಆಗಿರುತ್ತವೆ. ಅಂಬೇಡ್ಕರ್ ಅವರು ಇಂತಹ ಚಾರಿತ್ರಿಕ ಲೋಪಗಳನ್ನು ಗುರುತಿಸುವ ಜೊತೆಗೆ, ರಾಜಕೀಯ ಪ್ರೇರಿತವಾದ ಚರಿತ್ರೆಗಳಿಗಿಂತ, ಸಾಮಾಜಿಕ ನೆಲೆಗಳಿಂದ ಚರಿತ್ರೆಯನ್ನು ಬರೆಯುವುದು ಎಷ್ಟೊಂದು ಮಹತ್ವದ ಕೆಲಸವೆಂಬುದನ್ನೂ ಮನಗಾಣಿಸಿದ್ದಾರೆ. ಸಾಮಾಜಿಕ ಚರಿತ್ರೆಗಳನ್ನು ಕಡೆಗಣಿಸಿ ರಾಷ್ಟ್ರೀಯತೆಯ ಕಲ್ಪನೆಯನ್ನು ಊಹಿಸುವುದು ಕೂಡ ದುಸ್ತರದ ಸಂಗತಿಯೆಂಬುದನ್ನು ಅಂಬೇಡ್ಕರ್ ಅವರು ಚಿಂತನೆಗಳು ನಮಗೆ ಮನವರಿಕೆ ಮಾಡುತ್ತವೆ. ಈ ಕಾರಣಗಳಿಂದ ‘ಚರಿತ್ರೆಯನ್ನು ಮರೆತವರು ಚರಿತ್ರೆಯನ್ನು ಸೃಷ್ಟಿಸಲಾರರು’ ಎಂಬ ನಿಲುವನ್ನು ಅತ್ಯಂತ ಬಲವಾಗಿಯೇ ಅಂಬೇಡ್ಕರ್ ಅವರು ನಂಬಿರುತ್ತಾರೆ ಎಂಬುದು ಅತ್ಯಂತ ಗಮನಾರ್ಹ ಸಂಗತಿ.

ಚರಿತ್ರೆ ಎಂಬುದು ಒಂದು ಕನಸಾಗಲೀ ಇಲ್ಲವೇ ಭ್ರಮೆಯಾಗಲೀ ಅಲ್ಲ ಹಾಗೂ ಚರಿತ್ರೆಯೆಂಬುದು ಒಂದು ನಿರ್ವಾತವೂ ಅಲ್ಲ ಮತ್ತು ತೆರಪುಗಳನ್ನು ತುಂಬುವ ಪ್ರಕ್ರಿಯೆಯೂ ಅಲ್ಲ. ಬದಲಾಗಿ ಅದೊಂದು ಸಾಮಾಜಿಕ-ಸಾಂಸ್ಕೃತಿಕ-ರಾಜಕೀಯ ಗ್ರಹಿಕೆ ಮತ್ತು ಜ್ಞಾನಶಿಸ್ತು ಆಗಿರುತ್ತದೆ. ಜ್ಞಾನಶಿಸ್ತುಗಳು ಮತ್ತು ಗ್ರಹಿಕೆಗಳು ಸಮೂಹ ಕೇಂದ್ರಿತವಾಗಿರುಬೇಕೆ ಹೊರತು ಕೇವಲ ರಾಜಕೀಯ-ಸಾಮಾಜಿಕ ಪ್ರಾಬಲ್ಯವನ್ನು ಹೊಂದಿರುವ ವ್ಯಕ್ತಿಗಳ ಇಲ್ಲವೇ ಆಳುವ ವರ್ಗಗಳನ್ನು ಮಾತ್ರ ಪ್ರತಿನಿಧಿಸುವ ವಿನ್ಯಾಸಗಳಾಗಿ ಇವುಗಳು ಇರಲಾರವು. ಚರಿತ್ರೆಯೂ ಒಂದು ಜ್ಞಾನಶಿಸ್ತೇ ಆಗಿರುವುದರಿಂದ, ಇದು ಬಹುಸಮೂಹಗಳನ್ನು ಪ್ರತಿನಿಧಿಸುವ ವಿನ್ಯಾಸವಾಗಬೇಕು ಎಂಬ ಅಚಲವಾದ ನಿಲುವನ್ನು ಅಂಬೇಡ್ಕರ್ ಅವರು ತಾಳಿದ್ದರು. ಯಾವುದೇ ಗ್ರಹಿಕೆಯು ಸಮೂಹ ಕೇಂದ್ರಿತವಾಗಿರುತ್ತದೆ ಎನ್ನುವ ನಿಲುವಿನಲ್ಲಿ ಅಂಬೇಡ್ಕರ್ ಅವರಿಗೆ ತಾತ್ವಿಕ ಹಾಗೂ ವೈಯಕ್ತಿಕವಾಗಿ ಅಪಾರವಾದ ನಂಬಿಕೆಯಿತ್ತು.

ಹಾಗಾಗಿ ಅಂಬೇಡ್ಕರ್ ಅವರು ನಿನ್ನೆಗಳನ್ನು ಕುರಿತಾದ ತಾತ್ವಿಕ ಪ್ರಶ್ನೆಗಳನ್ನು ಮೈಮೇಲೆ ಎಳೆದುಕೊಂಡು, ಅವುಗಳಿಗೆ ಉತ್ತರಗಳನ್ನು ಹುಡುಕುವ ಪ್ರಯತ್ನವನ್ನು ಮಾಡಿರುತ್ತಾರೆ. ನಿನ್ನೆಗಳು ತಮ್ಮ ಹಕ್ಕುಗಳೆಂದು ಯಾರು ವಾದಿಸುವವರೋ ಅವರೆಲ್ಲರಿಗೂ, ವರ್ತಮಾನದಲ್ಲಿ ಉಂಟಾಗಿರುವ ಬಿಕ್ಕಟ್ಟುಗಳಿಗೆ ಈ ನಿನ್ನೆಗಳು ಹೇಗೆ ಹೊಣೆಯಾಗಿವೆ ಎಂಬ ದಿಟವನ್ನು ಅರಿಯುವುದಕ್ಕೆ ಬೇಕಾದ ವಿಶ್ಲೇಷಣೆಗಳನ್ನು ಇವರು ಮಾಡಿರುತ್ತಾರೆ. ಅಂಬೇಡ್ಕರ್ ಅವರ ಈ ಹಾದಿಯು ಎಲ್ಲರಿಗೂ ಒಪ್ಪಿತವಾಗುವ ಸತ್ಯವನ್ನು ಹೇಳುವುದಲ್ಲ. ಬದಲಾಗಿ, ಎಲ್ಲ ಸಮೂಹಗಳ ಇವತ್ತಿನ ಬದುಕಿಗೆ ಅಗತ್ಯವಾಗಿರುವ ಹಾದಿಗಳನ್ನು ರೂಪಿಸುವುದಾಗಿತ್ತು. ಆದ್ದರಿಂದ, ಸದ್ಯದ ಚರಿತ್ರೆ, ಸಾಹಿತ್ಯ, ಸಂಸ್ಕೃತಿ, ಆರ್ಥಿಕತೆ ಹಾಗೂ ರಾಜಕಾರಣವನ್ನು ವಿಶ್ಲೇಷಿಸುವುದಕ್ಕೆ ಅಂಬೇಡ್ಕರ್ ಅವರು ರೂಪಿಸಿದ ಈ ತಾತ್ವಿಕ ವಿನ್ಯಾಸಗಳು ಅತ್ಯಂತ ಸಮರ್ಪಕವಾಗಿರುತ್ತವೆ. ಇವರ ಈ ತಾತ್ವಿಕ ವಿನ್ಯಾಸಗಳಲ್ಲಿ ಅನ್ಯ ಪ್ರಭಾವಕ್ಕಿಂತ ಪ್ರೇರಣೆಗಳನ್ನು ಮಾತ್ರ ನಾವು ಕಾಣುತ್ತೇವೆ. ಆದ್ದರಿಂದ ಅಂಬೇಡ್ಕರ್ ಅವರು ರೂಪಿಸಿದ ಮರುರಚನೆಯ (ರೀಕನ್ಸ್ಟ್ರಕ್ಸನ್) ಮಾದರಿಗಳು ಕೇವಲ ತೆರಪುಗಳನ್ನು ತುಂಬುವ ರಚನೆಗಳಾಗದೆ, ವರ್ತಮಾನದ ಬಿಕ್ಕಟ್ಟುಗಳಿಗೆ ಇವುಗಳು ಹೇಗೆ ಕಾರಣವಾಗಿರುತ್ತವೆ ಹಾಗೂ ಇವುಗಳಿಗೆ ಉತ್ತರಗಳನ್ನು ಕಂಡುಕೊಳ್ಳುವ ಬಗೆಗಳಾವುವು ಎಂಬೆಲ್ಲ ಸಂಗತಿಗಳನ್ನು ಕುರಿತು ಅತ್ಯಂತ ವಸ್ತುನಿಷ್ಠ ವಿಶ್ಲೇಷಣೆಗಳನ್ನು ತಮ್ಮ ಬರಹಗಳಲ್ಲಿ ಮಾಡಿರುತ್ತಾರೆ.

ಅಂಬೇಡ್ಕರ್ ಅವರಿಗಿಂತ ಮೊದಲು ಇಂತಹದೊಂದು ನೋಟಕ್ರಮಕ್ಕೆ ಚಾಲನೆಯನ್ನು ಕೊಟ್ಟವರು ಜ್ಯೋತಿರಾವ್ ಫುಲೆಯವರು. ಆದರೆ ಇವರಿಬ್ಬರ ತಿಳಿವಳಿಕೆಗಳನ್ನು ಹೋಲಿಸಿ ನೋಡುವ ಉದ್ದೇಶಕ್ಕಿಂತ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳು ಬೆಳೆಯುವುದಕ್ಕೆ ಬೇಕಾಗಿರುವ ಚಾರಿತ್ರಿಕ ಒತ್ತಡಗಳು ಹೇಗಿರುತ್ತವೆ ಎಂಬ ದಿಟವನ್ನು ಅರಿಯುವುದಕ್ಕೆ, ಫುಲೆಯವರ ಚಿಂತನೆಗಳನ್ನು ಇಲ್ಲಿ ಚರ್ಚಿಸಲಾಗಿದೆ. ಹಾಗೂ ಭಾರತದ ಸನ್ನಿವೇಶದಲ್ಲಿ ಚರಿತ್ರೆ ಕಥನಶಾಸ್ತ್ರಗಳ ವಿಭಿನ್ನ ಸ್ವರೂಪವನ್ನೂ ಈ ಮೂಲಕ ಅರಿಯಬಹುದಾಗಿದೆ. ಜ್ಞಾನಶಿಸ್ತುಗಳನ್ನು ರೂಪಿಸುವ ಪ್ರಕ್ರಿಯೆಯ ಭಾಗವಾಗಿ ಈ ಹಾದಿಯನ್ನು ಕರ್ನಾಟಕದ ವಿದ್ವತ್ ಲೋಕದಲ್ಲಿ ಇಡೀಯಾಗಿ ಅನುಸರಿಸುವುದನ್ನು ನಾನು ಕಾಣಲಾರೆ.

ಅಂದರೆ ಯಾರೂ ಈ ಹಾದಿಯನ್ನು ತುಳಿಯುತ್ತಿಲ್ಲವೆಂದು ಅರ್ಥವಲ್ಲ. ಬದಲಾಗಿ ಇದುವೇ ಮುಖ್ಯಧಾರೆ ಚಿಂತನೆಯ ಕ್ರಮವಾಗಿ ಭಾರತ ಇಲ್ಲವೇ ಕರ್ನಾಟಕದಲ್ಲಿ ಇನ್ನೂ ಬೆಳೆದಿಲ್ಲವೆಂದರ್ಥ. ಆದರೆ ಅಂಬೇಡ್ಕರ್ ಚಿಂತನೆಯ ಮಾದರಿಯೆಂಬುದನ್ನು ಕೇವಲ ಪರ್ಯಾಯ ಆಲೋಚನೆಯ ಕ್ರಮವನ್ನಾಗಿ ಮಾತ್ರ ನೋಡಲಾಗಿದೆ. ಈ ನಿಲುವು ಸರಿಯಲ್ಲ. ಏಕೆಂದರೆ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳೇ ನಮ್ಮ ಮುಖ್ಯಧಾರೆಯ ಆಲೋಚನೆಯ ಕ್ರಮಗಳಾಗಬೇಕಾದ ತುರ್ತು ಇದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

ಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ

Published

on

~ಗೋವರ್ಧನ ನವಿಲೇಹಾಳು 

ಮಧ್ಯ ಕರ್ನಾಟಕದ ಹೃದಯಭಾಗವಾದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಈಗ ಉಪಚುನಾವಣೆಯ ಕಾವು‌ ಏರುತ್ತಲೇ ಇದೆ. ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದಾಗಿ ಖಾಲಿಯಾದ ಈ ಕ್ಷೇತ್ರದಲ್ಲಿ ಏಪ್ರಿಲ್ 9, 2026ರಂದು ಮತದಾನ ನಡೆಯಲಿದೆ. ಫಲಿತಾಂಶ ಮೇ 4ರಂದು ಪ್ರಕಟವಾಗಲಿದೆ. ಈ ಉಪಚುನಾವಣೆಯು ಕೇವಲ ಒಂದು ಸೀಟಿನ ಹೋರಾಟವಲ್ಲ; ಇದು ಕರ್ನಾಟಕ ರಾಜಕೀಯದಲ್ಲಿ ಪ್ರತಿಷ್ಠೆ, ಕುಟುಂಬ ವಾರಸುದಾರಿಕೆ, ಸಮುದಾಯ ಸಮೀಕರಣಗಳು ಮತ್ತು ಅಭಿವೃದ್ಧಿ ನಿರೀಕ್ಷೆಗಳ ನಡುವಿನ ಸಂಕೀರ್ಣ ಸಮರವಾಗಿದೆ.

ಶಾಮನೂರು ಶಿವಶಂಕರಪ್ಪ ಅವರು ತಾನು ಸ್ಪರ್ಧಿಸಿದ ಈ ಕ್ಷೇತ್ರವನ್ನು ಎಂದೂ ಸೋಲದೆ ಉಳಿಸಿಕೊಂಡಿದ್ದರು. ಅವರ ನಂತರ ಕಾಂಗ್ರೆಸ್ ಪಕ್ಷವು ಅವರ ಮೊಮ್ಮಗ ಸಮರ್ಥ್ ಶಾಮನೂರು ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ಇದು ಕಾಂಗ್ರೆಸ್ ಹೇಳುವಂತೆ “ಕುಟುಂಬಕ್ಕೆ ಟಿಕೆಟ್ ನೀಡುವ ಸಾಂಪ್ರದಾಯಿಕ ನಡೆ”ಯಾಗಿದೆ. ಬಿಜೆಪಿ ಪಕ್ಷವು ಶ್ರೀನಿವಾಸ್ ಟಿ. ದಾಸಕರಿಯಪ್ಪ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದೆ. ಇದರ ಜೊತೆಗೆ SDPIಯ ಅಫ್ಸರ್ ಕೊಡ್ಲಿಪೇಟೆ, ಸಾದಿಕ್ ಪೈಲ್ವಾನ್ ಸೇರಿದಂತೆ 25 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಆದರೆ ಮುಖ್ಯ ಹೋರಾಟ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆಯೇ ಇದೆ .

ಈ ಉಪಚುನಾವಣೆಯಲ್ಲಿ ಮುಸ್ಲಿಂ ಸಮುದಾಯದ ಪಾತ್ರ ನಿರ್ಣಾಯಕವಾಗಿದೆ. ಕ್ಷೇತ್ರದಲ್ಲಿ ಮುಸ್ಲಿಂ ಮತದಾರರ ಸಂಖ್ಯೆ ಸುಮಾರು 40% ಇದೆ ಎಂದು ಅಂದಾಜು. ಶಾಮನೂರು ಕುಟುಂಬಕ್ಕೆ ಐತಿಹಾಸಿಕ ಬೆಂಬಲವಿದ್ದರೂ, ಈ ಬಾರಿ ಮುಸ್ಲಿಂ ನಾಯಕರು ಟಿಕೆಟ್ ಆಕಾಂಕ್ಷೆಯನ್ನು ವ್ಯಕ್ತಪಡಿಸಿದ್ದರು. ಕಾಂಗ್ರೆಸ್ ಪಕ್ಷವು ಕುಟುಂಬ ವಾರಸುದಾರಿಕೆಯನ್ನು ಆಯ್ಕೆ ಮಾಡಿದ್ದಕ್ಕೆ ಅಸಮಾಧಾನ ವ್ಯಕ್ತವಾಗಿದೆ. ಸಚಿವ ಜಮೀರ್ ಅಹಮದ್ ಅವರ ಪ್ರಚಾರ ಮತ್ತು ಸಿಎಂ ಸಿದ್ದರಾಮಯ್ಯ ಅವರ ಭೇಟಿಗಳು ಈ ಅಸಮಾಧಾನವನ್ನು ತಣಿಸುವ ಪ್ರಯತ್ನವಾಗಿದೆ. ಆದರೆ ಮುಸ್ಲಿಂ ಮತಗಳ ವಿಭಜನೆಯ ಸಾಧ್ಯತೆ ಇದೆ. SDPI ಮತ್ತು ಇತರ (ಕಾಂಗ್ರೆಸ್ ಸಾದಿಕ್ ಅವರನ್ನು ಪೈಲ್ವಾನ್ ತಟಸ್ಥರಾಗಿರುವಂತೆ ಹೇಳಿದೆ) ಮುಸ್ಲಿಂ ಅಭ್ಯರ್ಥಿಗಳು ಈ ವಿಭಜನೆಯನ್ನು ಹೆಚ್ಚಿಸುವ ಸಾಧ್ಯತೆಯಿದೆ. ಬಿಜೆಪಿ ಎಸ್‌ಟಿ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಅಹಿಂದ ಮತಗಳನ್ನು ಸೆಳೆಯುವ ತಂತ್ರ ರೂಪಿಸಿದೆ.

ಕಾಂಗ್ರೆಸ್ ಪಕ್ಷಕ್ಕೆ ಈ ಉಪಚುನಾವಣೆ ಪ್ರತಿಷ್ಠೆಯ ವಿಷಯವಾಗಿದೆ. ರಾಜ್ಯದಲ್ಲಿ ಆಡಳಿತಾರೂಢ ಪಕ್ಷವಾಗಿ ತನ್ನ ಬಲವನ್ನು ಉಳಿಸಿಕೊಳ್ಳುವುದು ಅತ್ಯಗತ್ಯ. ಸಿಎಂ ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ದಾವಣಗೆರೆ ದಕ್ಷಿಣಕ್ಕೆ 100 ಕೋಟಿ ರೂಪಾಯಿ ಅನುದಾನ ಘೋಷಿಸಿದ್ದು, ಇದು ಉಪಚುನಾವಣೆಗೆ ಮುನ್ನ ಜನರನ್ನು ಆಕರ್ಷಿಸುವ ಪ್ರಯತ್ನವಾಗಿ ಕಾಣುತ್ತಿದೆ. ಅನುಕಂಪದ ಅಲೆಯೂ ಕಾಂಗ್ರೆಸ್‌ಗೆ ಬೆಂಬಲ ನೀಡುವ ಸಾಧ್ಯತೆಯಿದೆ. ಆದರೆ ಪಕ್ಷದಲ್ಲಿ ಬಂಡಾಯದ ಬಿಸಿ ತಟ್ಟಿದೆ. ಕಾಂಗ್ರೆಸ್ ನ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಅವರನ್ನು ಪಕ್ಷ ಚುನಾವಣೆಯಲ್ಲಿ ತಟಸ್ಥರಾಗಿರುವಂತೆ ಹೇಳಿದೆ. ಆದರೆ ಇದು ಮುಸಲ್ಮಾನರ ಒಳಮುನಿಸನ್ನು ತಣಿಸುತ್ತದೆಯೇ ಅಥವಾ ಮತ ವಿಭಜನೆಗೆ ಕಾರಣವಾಗುತ್ತದೆಯೇ ಎಂಬುದು ಫಲಿತಾಂಶದ ಮೇಲೆ ಪರಿಣಾಮವನ್ನಂತೂ ಬೀರುತ್ತದೆ.

ಬಿಜೆಪಿ ಪಕ್ಷಕ್ಕೆ ಇದು ನೈತಿಕ ಸ್ಥೈರ್ಯವನ್ನು ಹೆಚ್ಚಿಸುವ ಅವಕಾಶ. 2023ರ ವಿಧಾನಸಭಾ ಚುನಾವಣೆಯಲ್ಲಿ ಶಾಮನೂರು ಶಿವಶಂಕರಪ್ಪ ಅವರು ಬಿಜೆಪಿ ಅಭ್ಯರ್ಥಿ ಅಜಯ್ ಕುಮಾರ್ ಅವರನ್ನು ಸುಮಾರು 27,888 ಮತಗಳ ಅಂತರದಿಂದ ಸೋಲಿಸಿದ್ದರು. ಈ ಬಾರಿ ಬಿಜೆಪಿ “ಬದಲಾವಣೆ”ಯ ಸಂದೇಶವನ್ನು ನೀಡುತ್ತಿದೆ. ಅಭಿವೃದ್ಧಿ ಕೊರತೆ, ಗ್ಯಾರಂಟಿ ಯೋಜನೆಗಳ ವೆಚ್ಚ ಮತ್ತು ಸರ್ಕಾರದ ನೀತಿಗಳ ವಿರುದ್ಧ ವಾಗ್ದಾಳಿ ನಡೆಸುತ್ತಿದೆ. ಶ್ರೀನಿವಾಸ್ ದಾಸಕರಿಯಪ್ಪ ಅವರು ಕುಟುಂಬ ರಾಜಕಾರಣಕ್ಕೆ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ. ಆದರೆ ಬಿಜೆಪಿಗೆ ಕ್ಷೇತ್ರದಲ್ಲಿ ಐತಿಹಾಸಿಕ ಬೆಂಬಲ ಕಡಿಮೆ. ಮುಸ್ಲಿಂ ಮತ್ತು ಅಹಿಂದ ಮತಗಳನ್ನು ತನ್ನತ್ತ ಸೆಳೆಯುವುದು ಅವರ ದೊಡ್ಡ ಸವಾಲು.

ದಾವಣಗೆರೆ ದಕ್ಷಿಣ ಕ್ಷೇತ್ರವು ಕೈಗಾರಿಕೆ, ವ್ಯಾಪಾರ ಮತ್ತು ಕೃಷಿಯ ಸಮ್ಮಿಶ್ರಣವಾಗಿದೆ. ರಸ್ತೆಗಳು, ನೀರಾವರಿ, ಉದ್ಯೋಗ, ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳು ಜನರ ಮುಖ್ಯ ನಿರೀಕ್ಷೆಗಳು. ಹಿರಿಯ ಶಾಸಕರ ಕಾಲದಲ್ಲಿ ಕ್ಷೇತ್ರಕ್ಕೆ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದ್ದವು. ಆದರೆ ಇಂದು ಯುವಕರ ಉದ್ಯೋಗ, ಮಹಿಳೆಯರ ಸುರಕ್ಷತೆ ಮತ್ತು ಸ್ಥಳೀಯ ಸಮಸ್ಯೆಗಳು ಬಗೆಹರಿಯಬೇಕಿದೆ. ಉಪಚುನಾವಣೆಯಲ್ಲಿ ಅಭ್ಯರ್ಥಿಗಳು ಭರವಸೆಗಳ ಮಳೆ ಸುರಿಸುತ್ತಿದ್ದಾರೆ. ಆದರೆ ಜನರು ನೋಡುವುದು ಕಾರ್ಯನಿರ್ವಹಣೆಯನ್ನು. 100 ಕೋಟಿ ಅನುದಾನ ಘೋಷಣೆಯಂತಹ ಕ್ರಮಗಳು ತಾತ್ಕಾಲಿಕ ಆಕರ್ಷಣೆಯಾಗಬಹುದು, ಆದರೆ ಸುಸ್ಥಿರ ಅಭಿವೃದ್ಧಿ ಅಗತ್ಯ.

ರಾಜಕೀಯವು ಜನಸೇವೆಗಾಗಿ ಇರಬೇಕು, ಅಧಿಕಾರಕ್ಕಾಗಿ ಅಲ್ಲ ಎಂಬುದು ಎಲ್ಲರೂ ಹೇಳುವ ಮಾತು. ಆದರೆ ವಾಸ್ತವದಲ್ಲಿ ಕುಟುಂಬ ರಾಜಕಾರಣ, ಜಾತಿ-ಸಮುದಾಯ ಲೆಕ್ಕಾಚಾರಗಳು ಪ್ರಬಲವಾಗಿವೆ. ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬದ ವರ್ಚಸ್ಸು ದೀರ್ಘಕಾಲದ್ದು. ಇದು ಜನಸೇವೆಯ ಫಲವೋ ಅಥವಾ ವ್ಯವಸ್ಥೆಯ ದೌರ್ಬಲ್ಯವೋ ಎಂಬುದನ್ನು ಜನರು ನಿರ್ಧರಿಸಬೇಕು. ಬಿಜೆಪಿ “ಬದಲಾವಣೆ”ಯ ಸಂದೇಶ ನೀಡುತ್ತಿದ್ದರೂ, ಅದು ಕೇವಲ ವಿರೋಧ ಪಕ್ಷದ ಧ್ವನಿಯಾಗಿ ಉಳಿಯದೆ ಸಕಾರಾತ್ಮಕ ಪರ್ಯಾಯವಾಗಬೇಕು.

ಈ ಉಪಚುನಾವಣೆಯಲ್ಲಿ ಮತದಾರರ ಜವಾಬ್ದಾರಿ ದೊಡ್ಡದು. ಅನುಕಂಪ, ಕುಟುಂಬ ನಿಷ್ಠೆ ಅಥವಾ ಸಮುದಾಯ ಲೆಕ್ಕಾಚಾರಕ್ಕಿಂತ ಹೆಚ್ಚಾಗಿ ಅಭಿವೃದ್ಧಿ, ಪಾರದರ್ಶಕತೆ ಮತ್ತು ಜನೋಪಯೋಗಿ ಕಾರ್ಯಗಳನ್ನು ಆಧರಿಸಿ ಮತ ನೀಡಬೇಕು. ಯುವಕರು ಮತ್ತು ಮಹಿಳೆಯರು ಹೆಚ್ಚು ಸಕ್ರಿಯರಾಗಬೇಕು. ಮತದಾನ ಶೇಕಡಾ 80ಕ್ಕಿಂತ ಹೆಚ್ಚು ಆಗುವಂತೆ ಮಾಡುವುದು ಪ್ರಜಾಪ್ರಭುತ್ವದ ಆರೋಗ್ಯಕ್ಕೆ ಸೂಚಕ.

ಕರ್ನಾಟಕ ರಾಜಕೀಯದಲ್ಲಿ ಉಪಚುನಾವಣೆಗಳು ಸಣ್ಣ ಪರೀಕ್ಷೆಗಳು. ದಾವಣಗೆರೆ ದಕ್ಷಿಣದ ಫಲಿತಾಂಶವು 2028ರ ವಿಧಾನಸಭಾ ಚುನಾವಣೆಗೆ ಸಂದೇಶ ನೀಡುತ್ತದೆ. ಕಾಂಗ್ರೆಸ್ ಗೆದ್ದರೆ ಅದು ತನ್ನ ಬಲವನ್ನು ಮತ್ತಷ್ಟು ಭದ್ರಪಡಿಸಿಕೊಳ್ಳುತ್ತದೆ. ಬಿಜೆಪಿ ಗೆದ್ದರೆ ಅದು ವಿರೋಧ ಪಕ್ಷವಾಗಿ ತನ್ನ ಸಾಮರ್ಥ್ಯವನ್ನು ತೋರಿಸುತ್ತದೆ. ಆದರೆ ಗೆಲುವು ಯಾರದ್ದಾದರೂ, ಜಯಿಸುವುದು ದಾವಣಗೆರೆ ದಕ್ಷಿಣದ ಜನರೇ ಆಗಬೇಕು.

ಈ ಹೋರಾಟದಲ್ಲಿ ರಾಜಕೀಯ ಪಕ್ಷಗಳು ಜನರ ಸಮಸ್ಯೆಗಳನ್ನು ಕೇಂದ್ರದಲ್ಲಿ ಇರಿಸಿಕೊಂಡು ಪ್ರಚಾರ ಮಾಡಲಿ. ಮತದಾರರು ತಮ್ಮ ಧ್ವನಿಯನ್ನು ಸ್ಪಷ್ಟವಾಗಿ ಮತ್ತು ನಿರ್ಭಯವಾಗಿ ವ್ಯಕ್ತಪಡಿಸಲಿ. ದಾವಣಗೆರೆ ದಕ್ಷಿಣ ಉಪಚುನಾವಣೆಯು ಪ್ರಜಾಪ್ರಭುತ್ವದ ಸೌಂದರ್ಯವನ್ನು ಪ್ರದರ್ಶಿಸುವ ಅವಕಾಶವಾಗಲಿ. ಅಭಿವೃದ್ಧಿ, ಸಮಾನತೆ ಮತ್ತು ಪಾರದರ್ಶಕ ಆಡಳಿತದತ್ತ ಕ್ಷೇತ್ರ ಸಾಗಲಿ ಎಂಬುದೇ ನಮ್ಮ ಆಶಯ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

Trending