Connect with us

ಅಂತರಂಗ

ಅರಿಮೆಯ ಅರಿವಿರಲಿ-43 : ನಿನ್ನ ಸಹವಾಸ ಸಾಕು

Published

on

  • ಯೋಗೇಶ್ ಮಾಸ್ಟರ್

ನಾನು’ – ದ ಫಸ್ಟ್ ಪರ್ಸನ್ – ಏಕವಚನದ ವ್ಯಕ್ತಿಯಾದ ನಾನು ನನ್ನ ಜೊತೆಗೆ ಜೀವಿಸುತ್ತಿರುವವರನ್ನು ಅರಿಮೆಯಿಂದ ಮುಕ್ತರನ್ನಾಗಿಸುವ ಜವಾಬ್ದಾರಿಯನ್ನು ತೆಗೆದುಕೊಳ್ಳುವುದಾದರೆ ಮೊದಲು ನನ್ನ ಅರಿಮೆಯನ್ನು ಅರಿಯಬೇಕು. ಅದನ್ನು ಒಪ್ಪಿಕೊಳ್ಳಲು ನನ್ನ ಅಹಂಕಾರ ಅಡ್ಡ ಬರಬಾರದು. ಎರಡನೆಯದು ಅದರ ಬಗ್ಗೆ ಸದಾ ಜಾಗರೂಕತೆಯಿಂದ ನನ್ನ ನಾನು ಗಮನಿಸಿಕೊಳ್ಳಬೇಕು. ಎಲ್ಲೆಲ್ಲಿ ಅದು ತನ್ನ ತಲೆ ಎತ್ತುವ ಸಾಧ್ಯತೆಗಳನ್ನು ಕಂಡುಕೊಳ್ಳುತ್ತೇನೋ ಅಲ್ಲಿ ಅದನ್ನು ಮಣಿಸುವಂತೆ ವರ್ತನೆಯನ್ನು ತೋರಬೇಕು.

ಉದಾಹರಣೆಗೆ ಆತ್ಮರತಿ ಅಥವಾ ನಾರ್ಸಿಸಂ ಗಮನಕ್ಕೆ ಬಂದ ಕೂಡಲೇ ಉದ್ದೇಶಪೂರ್ವಕವಾಗಿ ವಿನಯವನ್ನು ಅಭ್ಯಾಸ ಮಾಡಬೇಕು. ನಾನು ವಿನಯದ ವರ್ತನೆಯನ್ನು ತೋರಿದರೆ ನಾನು ಸೋತಂತೆ ನನ್ನ ಎದುರಾಳಿಗೆ ಗೆಲ್ಲುವುದಕ್ಕೆ ಬಿಟ್ಟಂತೆ ಎಂಬಂತಹ ಆಲೋಚನೆ ಬರಬಾರದು. ಬಂದರೂ ಪರವಾಗಿಲ್ಲ. ನನ್ನ ದೌರ್ಬಲ್ಯವನ್ನು ನಾನು ಗೆಲ್ಲುವುದು ಅತ್ಯಂತ ಮುಖ್ಯ ಎಂಬ ಮನವರಿಕೆಯಿಂದ ವರ್ತಿಸಬೇಕು. ಸಾಮಾನ್ಯವಾಗಿ ನನ್ನ ಎದುರಾಳಿಯು ನನ್ನ ವಿನಯವನ್ನು ನನ್ನ ಹೇಡಿತನವೆಂದು, ಅಸಹಾಯಕತೆ ಎಂದು ಭಾವಿಸುತ್ತಾನೆ. ಇದರಿಂದ ನನಗೆ ಅವಮಾನವಾಗುತ್ತದೆ ಎಂಬ ಭಾವ ಪದೇ ಪದೇ ಮೂಡುತ್ತಿರುತ್ತದೆ.

ಆದರೆ ಅದು ಭ್ರಮೆ. ಅವರು ಯಾರೂ ಏನೂ ನಮ್ಮ ಬಗ್ಗೆ ಹಾಗೆ ಅಂದುಕೊಳ್ಳುವುದಿಲ್ಲ. ಸರಿ, ಒಂದು ವೇಳೆ ಅಂದುಕೊಂಡರೆ, ಅಂದುಕೊಳ್ಳಲಿ ಪರವಾಗಿಲ್ಲ. ನನಗೆ ನಾನು ನನ್ನ ಅರಿಮೆಯಿಂದ ಮುಕ್ತವಾಗಬೇಕು ಎನ್ನುವ ಆಲೋಚನೆಯನ್ನು ಉದ್ದೇಶಪೂರ್ವಕವಾಗಿ ಮಾಡಬೇಕು. ಅದೇ ಪ್ರಜ್ಞೆಯಿಂದ ಅದನ್ನು ಬಲಗೊಳಿಸಿಕೊಳ್ಳಬೇಕು.

ಇನ್ನು ಮೂರನೆಯದಾಗಿ, ಯಾರಲ್ಲೇ ಯಾವುದೇ ಬಗೆಯ ಅರಿಮೆಯನ್ನಾಗಲಿ ಅಥವಾ ಮಾನಸಿಕ ಸಮಸ್ಯೆಯಾಗಲಿ ಕಂಡರೆ ಅವರ ಬಗ್ಗೆ ಅನುಕಂಪವನ್ನು ಹೊಂದಬೇಕು.ಅವರು ವ್ಯತ್ಯಾಸವಾಗಿ ವರ್ತಿಸಿದರೂ ‘ತಿಕ್ಕಲು ತಿಕ್ಕಲಾಗಿ ಆಡಬೇಡ’ ಎಂದೋ, ‘ಯೂ ಆರ್ ವಿಯರ್ಡ್’ ಅಂದರೆ ವಿಲಕ್ಷಣವಾಗಿ ಅಥವಾ ವಿಚಿತ್ರವಾಗಿ ಆಡುತ್ತಿದ್ದೀಯ ಎಂದೋ ಅನ್ನಬಾರದು. ಹೇ, ಯಾಕೆ ಹೇಗೇಗೋ ಒಳ್ಳೆ ದೆವ್ವ ಹಿಡದಂಗೆ, ದೇವರು ಮೈ ಮೇಲೆ ಬಂದಂಗೆ ಆಡ್ತಿದ್ದೀಯಾ, ಹುಚ್ಚು ಹಿಡಿದಿದೆಯಾ? ಪಿತ್ತ ನೆತ್ತಿಗೇರಿದೆಯಾ? ಇತ್ಯಾದಿ ಮಾತುಗಳನ್ನು ರೂಢಿಯಲ್ಲಿ ಆಡುತ್ತಾರೆ. ಅದರಲ್ಲೂ “ನಿನ್ನ ಸಹವಾಸ ಸಾಕಪ್ಪಾ” ಎಂದಂತೂ ಖಂಡಿತ ಅನ್ನಬಾರದು. ಅರಿಮೆಗಳ ಮತ್ತು ಮಾನಸಿಕ ಸಮಸ್ಯೆಗಳ ಬಗ್ಗೆ ಅರಿವು ಇಲ್ಲದವರ ಮಾತುಗಳು ಇವು.

ವೈದ್ಯನು ರೋಗಿಯನ್ನು ದ್ವೇಷಿಸುವುದು ನೈತಿಕವೇ?

ಯಾವ ವ್ಯಕ್ತಿಯೂ ತನ್ನ ಸಂಬಂಧಗಳನ್ನು ಹಾಳು ಮಾಡಿಕೊಳ್ಳಲು ಇಷ್ಟ ಪಡುವುದಿಲ್ಲ. ಅವನಿಗೆ ಆನಂದವೇ ಬೇಕಾಗಿರುವುದು. ತಾನೂ ಮತ್ತು ತನ್ನ ಜೊತೆಗಾರರೆಲ್ಲವೂ ಆನಂದವಾಗಿರಬೇಕೆಂದೇ ಬಯಸುವವನು. ಆದರೆ ಆನಂದ ಪಡೆಯುವ ಅಥವಾ ನೀಡುವ ಬದಲು ತನ್ನ ಮತ್ತು ಇತರರ ಸಂತೋಷವನ್ನು ಹಾಳುಮಾಡುವಂತಹ ಯಾವುದೇ ವರ್ತನೆಯನ್ನು ತೋರಿದರೂ, ಅಲ್ಲಿ ತಿಳಿದುಕೊಳ್ಳಿ, ಆತನಲ್ಲಿ ಅಥವಾ ಆಕೆಯಲ್ಲಿ ಸಮಸ್ಯೆ ಇದೆ ಎಂದು ಸ್ಪಷ್ಟವಾದ ಅರ್ಥ. ಆ ಸಮಸ್ಯೆಯನ್ನು ತಂದುಕೊಂಡಿರುವುದು ಅವರ ತಪ್ಪಲ್ಲ ಅಥವಾ ಅಪರಾಧವಲ್ಲ. ಏಕೆಂದರೆ ಮಾನಸಿಕ ಸಮಸ್ಯೆಗಳು ಅವರಿಗೆ ಅರಿವಿಲ್ಲದಂತೆಯೇ ಅವರಲ್ಲಿ ಇನ್‍ಸ್ಟಾಲ್ ಆಗಿರುತ್ತದೆ.

ಹಾಗೂ ಅವರಂತೂ ಖಂಡಿತ ಕಾರಣರಲ್ಲ. ಅವರಿಗೆ ಸಮಸ್ಯೆ ಇದೆ ಎಂದೇ ಗೊತ್ತಿರುವುದಿಲ್ಲ. ಎಷ್ಟೋ ಬಾರಿ ಅವರ ಸಮಸ್ಯೆಗಳನ್ನು ಅವರ ಸಾಮರ್ಥ್ಯ ಎಂದುಕೊಂಡಿರುತ್ತಾರೆ. ಅವರ ದೌರ್ಬಲ್ಯಗಳನ್ನು ಅವರ ಬಲ ಎಂದುಕೊಂಡಿರುತ್ತಾರೆ. ಹಾಗಾಗಿಯೇ ಅವರು ತಮ್ಮ ಸಮಸ್ಯೆಗಳನ್ನು ಅರಿತುಕೊಳ್ಳದೆಯೇ ಅದರ ಪ್ರಭಾವಗಳನ್ನು ಪ್ರಕಟಗೊಳಿಸುತ್ತಲೇ ಹೋಗುತ್ತಿರುತ್ತಾರೆ. ಅವರಿಗೆ ಗೊತ್ತಾದರೂ ಅವರು ಮುಂದುವರಿಸುತ್ತಿದ್ದಾರೆಂದರೆ ಅದು ಅವರ ನಿಯಂತ್ರಣಕ್ಕೆ ಮೀರಿ ಹೋಗಿದೆ ಎಂದು ಅರ್ಥ. ಅವರಿಗೆ ಅದನ್ನು ನಿಭಾಯಿಸಲು ಆಗುತ್ತಿಲ್ಲ ಎಂದು ಅರ್ಥ.

ಇಡೀ ದೇಶವೇ ಸಾಂಘಿಕವಾಗಿ ತನ್ನ ಎಲ್ಲಾ ಶಕ್ತಿ ಸಾಮರ್ಥ್ಯಗಳನ್ನು ಬಳಸಿಕೊಂಡು ಒಂದು ವೈರಸ್ ವಿರುದ್ಧ ಹೋರಾಡುವಾಗಲೂ ಬಹಳ ಕಷ್ಟಪಡುತ್ತದೆ. ಆಯಾಸಗೊಳ್ಳುತ್ತದೆ. ಸೋತಂತಾಗುತ್ತದೆ. ನಿಭಾಯಿಸಲು ಆಗದೇ ಕೈ ಚೆಲ್ಲುತ್ತದೆ. ವ್ಯವಸ್ಥೆಗಳಲ್ಲಿ ಕಪ್ಪೆಗಳನ್ನು ತಕ್ಕಡಿಗೆ ಹಾಕಿದಂತೆ ಇಲ್ಲಿ ತ್ಯಾಪೆ ಹಾಕಲು ಹೋದರೆ ಅಲ್ಲಿ ಹರಿಯುತ್ತದೆ. ಅಲ್ಲಿ ತ್ಯಾಪೆ ಹಾಕಲು ಹೋದರೆ ಇಲ್ಲಿ ಹರಿಯುತ್ತದೆ.ಹರಕುಗಳು ಎಲ್ಲೆಲ್ಲಿವೆ ಎಂದೇ ತಿಳಿಯದಷ್ಟು ಸೋಂಕುಗಳು ಸೋರುತ್ತಿರುತ್ತವೆ.

ಹಾಗಿರುವಾಗ ಒಬ್ಬ ವ್ಯಕ್ತಿಯು ತನ್ನ ಮನಸ್ಸಿನಲ್ಲಿ ಹೊಕ್ಕಿರುವ ವೈರಸ್ಸುಗಳು ಯಾವುವು ಎಂದೇ ತಿಳಿಯಲು ಸಾಧ್ಯವಾಗದೇ ಒದ್ದಾಡುವುದು, ಯಾವ ಯಾವ ಬಗೆಯ ವೈರಸ್ಸುಗಳು ಎಂದು ಕೂಡಾ ಪತ್ತೆ ಹಚ್ಚಲಾಗದೇ ಹೋಗುವುದು ಏನೂ ಹೆಚ್ಚಲ್ಲ. ಅಪರಾಧವೂ ಅಲ್ಲ. ಆದರೆ ಪ್ರಾಮಾಣಿಕವಾದ ಪ್ರಯತ್ನವನ್ನು ಮಾಡದೇ ಹೋಗುವುದು ಅಮಾನವೀಯ. ತಿಳುವಳಿಕೆಯನ್ನು ಪಡೆಯುವುದಕ್ಕೂ ಮುಂದಾಗದೇ ತನ್ನ ಹಟಮಾರಿತನದಲ್ಲಿ ಅಡಗಿಕೊಳ್ಳುವುದು ಅಜ್ಞಾನ.

ವೈದ್ಯನು ರೋಗಿಯ ಮೇಲೆ ಕೋಪಗೊಂಡರಾದೀತೇ? ವೈದ್ಯನ ಕಾಯಕವೇ ರೋಗವನ್ನು ಗುಣಪಡಿಸುವುದಾಗಿದ್ದು, ರೋಗಿಷ್ಟನಾಗಿದ್ದಾನೆಂದು ರೋಗಿಯನ್ನು ದ್ವೇಷಿಸುವುದು ನೈತಿಕವೇ? ಹಾಗೆಯೇ ಮನಸ್ಸಿನ ವಿಚಾರಗಳಲ್ಲಿ, ವರ್ತನೆ ಮತ್ತು ಸಂಬಂಧಗಳ ನಿರ್ವಹಣೆಗಳಲ್ಲಿ ಎಲ್ಲರೂ ಅರಿವುಳ್ಳವರಾಗಬೇಕು ಮತ್ತು ತಮ್ಮೊಡನೆ ವ್ಯತ್ಯಾಸವಾಗಿ ವರ್ತಿಸುವವರ ಮೇಲೆ ಅನುಕಂಪದಿಂದ ಅವರಿಗೆ ಸುಧಾರಿಸಿಕೊಳ್ಳಲು ನೆರವಾಗಬೇಕು. ಅವರು ಸುಧಾರಿಸಿಕೊಳ್ಳಲಾಗಲಿಲ್ಲವೆಂದರೆ ನಮ್ಮ ನೈಪುಣ್ಯಕೆ ಸವಾಲು ಎಂದು ಮತ್ತಷ್ಟು ಮಗದಷ್ಟು ಜ್ಞಾನ, ಪ್ರಜ್ಞೆ ಮತ್ತು ತಂತ್ರಗಳಿಂದ ನಿಪುಣರಾಗಲು ಯತ್ನಿಸಬೇಕು. ನೆಗಡಿ ಬಂದಿದೆ ಎಂದು ಮೂಗು ಕುಯ್ದುಕೊಳ್ಳುವುದೇ?

ಅಪರಾಧಿಗಳ ನಿರ್ಮಾತರು

ಕೆಟ್ಟದಾಗಿ ವರ್ತಿಸುವವನು, ಕೆಟ್ಟ ಕೆಲಸ ಮಾಡುವವನು, ಕೆಟ್ಟ ಮಾತುಗಳನ್ನು ಆಡುವವನು ಕೆಟ್ಟವನಲ್ಲವೇ? ದುಷ್ಟ ಎಂಬುವನು ಯಾರೂ ಇಲ್ಲವೇ? ಹಾಗಿದ್ದ ಮೇಲೆ ಯಾರನ್ನು ನಾವು ದುಷ್ಟರೆನ್ನಬೇಕು? ಯಾರನ್ನು ಕೆಟ್ಟವರೆನ್ನಬೇಕು? ಅಪರಾಧಿಗಳು ಎನ್ನುವವರು ಯಾರು ಎಂದು ಕೇಳಿದರೆ, ನನ್ನ ಉತ್ತರ ‘ಯಾರೂ ಇಲ್ಲ.’
Criminals are not born but they are made ಎಂಬ ಮಾತು ನಮಗೆ ಗೊತ್ತು. ಎಲ್ಲಾ ತಾಯಂದಿರೂ ಏನೂ ಅರಿಯದ ಮುಗ್ಧ ಶಿಶುವಿಗೇ ಜನ್ಮ ನೀಡುವುದು. ಯಾವ ತಾಯಿಯೂ ಅಪರಾಧಿ ಶಿಶುವನ್ನು ಹೆರುವುದಿಲ್ಲ. ಆದರೆ ಆ ಮಗುವು ಅಪರಾಧಿಯಾಗಿ ಮುಂದೆ ರೂಪುಗೊಳ್ಳುವುದು.

ಹಾಗೆ ರೂಪಿಸುವುದಾದರೂ ಯಾರು? ಕುಟುಂಬ, ಪರಿಸರ, ಸಮಾಜ, ವ್ಯವಸ್ಥೆ, ಸಂಸ್ಕೃತಿ ಇತ್ಯಾದಿ ಆ ಮಗುವಿನ ಮೇಲೆ ಪ್ರಭಾವ ಬೀರುವ ಪ್ರಮುಖ ಅಂಶಗಳು. ಆದರೆ ಆ ತಪ್ಪನ್ನು ಒಪ್ಪಿಕೊಳ್ಳಲು ಸಿದ್ಧವಿಲ್ಲದ ನಾವು ಹೇಳುವುದಾದರೂ ಏನು? ನಾವು ಎಷ್ಟು ಒಳ್ಳೆ ಮಾತು ಹೇಳಿದರೂ ಅವನು ಅಥವಾ ಅವಳು ಕೇಳುವುದಿಲ್ಲ ಎಂದು ದೂರುತ್ತೇವೆ. ಇನ್ನೂ ಸುಲಭವಾಗಿ ಅವನ ಅಥವಾ ಅವಳ ಹಣೆಬರಹವೇ ಆಗಿತ್ತು ಎನ್ನುತ್ತೇವೆ.

ಹಿಂದೆ ಮಾಡಿದ ಕರ್ಮ ಹೀಗೆ ಕಾಡುತ್ತಿದೆ ಎಂದೋ, ಯಾರೋ ಮಾಟ ಮಂತ್ರ ಮಾಡಿಸಿದ್ದಾರೆ ಎಂದೋ, ಅವರ ಹುಟ್ಟಿದ ಗಳಿಗೆಯೇ ಹಾಗಿತ್ತು, ಜಾತಕದಲ್ಲಿ ಚೆನ್ನಾಗಿಲ್ಲ, ಗ್ರಹಗತಿ ಚೆನ್ನಾಗಿಲ್ಲ; ಹೀಗೆ ಹತ್ತು ಹಲವು ನೆಪಗಳನ್ನು ತೋರುತ್ತಿರುತ್ತೇವೆ, ಇದಕ್ಕೆ ಕಾರಣ ನಾನಲ್ಲ ಎಂದು ಹೊಣೆಗಾರಿಕೆಯನ್ನು ಕೊಡವಿಕೊಳ್ಳಲು.

ಒಂದು ಮಗುವಿನ ವ್ಯಕ್ತಿತ್ವದ ರೂಪುಗೊಳ್ಳುವಿಕೆಯಲ್ಲಿ, ವರ್ತನೆಯಳನ್ನು, ಆಲೋಚನೆಗಳನ್ನು ರೂಢಿಗೊಳಿಸುವಲ್ಲಿ ಕುಟುಂಬ, ಸಮಾಜ, ವ್ಯವಸ್ಥೆ ಮತ್ತು ಶಿಕ್ಷಣ ಎಲ್ಲವೂ ವಿಫಲವಾಗಿರುವ ಸ್ಪಷ್ಟ ಕುರುಹೇ ಅಪರಾಧಗಳಿಂದ ಕೂಡಿರುವ ಸಮಾಜ. ಯಾರೂ ಯಾರನ್ನೂ ದೂರುವುದು ಬೇಕಾಗಿಲ್ಲ. ಇದು ಸಾಂಘಿಕ ವೈಫಲ್ಯ. ನಾವು ಸಾಮೂಹಿಕ ಜವಾಬ್ದಾರಿಯನ್ನು ಹೊರಬೇಕು. ಎಲ್ಲರಿಗೂ ಅವರವರ ಹೊಣೆಗಾರಿಕೆಗಳಿವೆ.ಈ ಎಚ್ಚರಿಕೆಯನ್ನು ಹೊಂದಿದ್ದು, ಜಾಗೃತರಾಗಿ ಕೆಲಸ ಮಾಡುವುದಾದರೆ ಮಾತ್ರ ಒಂದಿಷ್ಟಾದರೂ ಮುಂದಿನ ಅವಘಡಗಳನ್ನು ತಪ್ಪಿಸಬಹುದು.

ಕೆಟ್ಟದ್ದು ಮತ್ತು ಒಳ್ಳೆಯದು ಎನ್ನುವುದೇ ಅವರವರ ಪರಿಕಲ್ಪನೆ. ಅವರವರ ಆಲೋಚನೆ, ಆಸಕ್ತಿ ಮತ್ತು ಇಷ್ಟಗಳ ಆಧಾರದ ಮೇಲೆ ಯಾರು ಒಳ್ಳೆಯವರು, ಯಾರು ಕೆಟ್ಟವರು ಎಂದು ಆಲೋಚಿಸುತ್ತಾರೆ. ಯಾವುದು ಒಳ್ಳೆಯದು, ಯಾವುದು ಕೆಟ್ಟದು ಎಂದು ನಿರ್ಧರಿಸುತ್ತಾರೆ. ಅದರಂತೆಯೇ ವ್ಯಕ್ತಿಗಳನ್ನೂ, ಸಿದ್ಧಾಂತಗಳನ್ನೂ ಮತ್ತು ವ್ಯವಸ್ಥೆಗಳನ್ನೂ ದೂರುತ್ತಾರೆ ಅಥವಾ ಪ್ರಶಂಸಿಸುತ್ತಾರೆ. ಹಾಗಾಗಿಯೇ ಇಷ್ಟೊಂದು ಸಂಘರ್ಷ ಮತ್ತು ದೌರ್ಜನ್ಯಗಳು ಇರುವುದು.

ಒಬ್ಬ ಅಥವಾ ಎಲ್ಲರೂ ಮಾನಸಿಕವಾಗಿ ಉಲ್ಲಾಸದಿಂದ ಆನಂದದಿಂದ ಇರಬೇಕೆಂದರೆ ಎಂತಹ ಮನೋಭಾವವನ್ನು ಹೊಂದಿರಬೇಕೆಂದರೆ, ‘ಮೂಲಭೂತ ಅಗತ್ಯಗಳನ್ನು ಪೂರೈಸಿಕೊಂಡು ನಾನು ನನ್ನವರೊಂದಿಗೆ ಚೆನ್ನಾಗಿರಬೇಕು. ಆನಂದವಾಗಿರಬೇಕು. ಹಾಗೆಯೇ ಇತರರೂ ಚೆನ್ನಾಗಿರಬೇಕು. ಆನಂದವಾಗಿರಬೇಕು. ಇಷ್ಟೇ ನಾವು ಒಳ್ಳೆಯದು ಅಥವಾ ಕೆಟ್ಟದು ಎಂಬ ಎಲ್ಲಾ ಸಿದ್ಧಾಂತಗಳನ್ನೂ ಮೀರಿ ಇರಬೇಕಾಗಿರುವ ಮೂಲ ಮನೋಭಾವ. ಇದಕ್ಕೆ ಮೀರಿ ಸಂಗತಿಗಳು ನಮ್ಮಲ್ಲಿ ಮತ್ತು ಸುತ್ತಮುತ್ತಲೂ ಘಟಿಸುತ್ತಿರುವುದರಿಂದ ಕ್ಷಮೆ, ಕರುಣೆ, ಔದಾರ್ಯ, ವಿನಯ, ಕೃತಜ್ಞತೆ ಇತ್ಯಾದಿ ಪರಿಕಲ್ಪನೆಗಳು ನಿರ್ವಹಣಾ ತಂತ್ರಗಳಾಗಿ (ಮೇನೇಜ್ಮೆಂಟ್ ಟೆಕ್ನಿಕ್ಸ್) ಬೇಕಾಗಿರುವುದು.

ಅರಿಮೆಗಳೆಲ್ಲಾ ರೋಗಗಳೇನಲ್ಲ

ನಾನು ಚೆನ್ನಾಗಿದ್ದು ನನ್ನೊಡನೆ ಇರುವವರು ಚೆನ್ನಾಗಿರಲಿಲ್ಲವೆಂದರೂ ಕೆಲವರಲ್ಲಿ ಕೀಳರಿಮೆ ಕಾಡುತ್ತದೆ. ಅದಕ್ಕೆ Successor ಅಥವಾ Survivor Guilt ಎನ್ನುತ್ತೇವೆ. ನೀವು ಜೀವನ ನಿರ್ವಹಣೆಗೆ ಅಗತ್ಯವಿರುವಂತಹ ಜೀವನೋಪಾಯಕ್ಕೆ ಮಾರ್ಗ ಕಂಡುಕೊಂಡಿರುತ್ತೀರಿ. ಆರ್ಥಿಕತೆಯಲ್ಲಿ ಸ್ವಾವಲಂಬಿಯಾಗಿರುತ್ತೀರಿ. ಆದರೆ ನಿಮ್ಮ ತಮ್ಮನೋ ಅಥವಾ ಅಣ್ಣನೋ ಅಥವಾ ಇನ್ನಾದರೂ ಗೆಳೆಯರೋ ನಿಮಗೆ ಆತ್ಮೀಯವಾಗಿ, ಬದುಕಿನಲ್ಲಿ ಆಪ್ತವಾಗಿರುವವರು ಪರಾವಲಂಬಿಯಾಗಿರುತ್ತಾರೆ. ಆರ್ಥಿಕವಾಗಿ ಮುನ್ನೆಲೆಗೆ ಬಂದಿರುವುದಿಲ್ಲ. ತೊಂದರೆಯಲ್ಲಿ ಬಳಲುತ್ತಿರುತ್ತಾರೆ. ಆಗ ನಿಮಗೆ ಈ ಅಪರಾಧ ಪ್ರಜ್ಞೆ ಕಾಡಬಹುದು.

ನಮ್ಮ ಆಪ್ತರ ಹೆಂಡತಿ ತೀರಿ ಹೋಗಿದ್ದು, ಅವರು ಸಂಸಾರ ನಿರ್ವಹಣೆಯಲ್ಲಿ ಸಮಸ್ಯೆ ಎದುರಿಸುತ್ತಿದ್ದರೆ, ನಾನು ನನ್ನ ಹೆಂಡತಿಯೊಡನೆ ಸುಖವಾಗಿ ಸಂಸಾರ ನಡೆಸುವುದಕ್ಕೆ ಕಸಿವಿಸಿ ಎನ್ನಿಸುವ ಭಾವವೂ ಕೂಡಾ ಈ ಅರಿಮೆಯೇ. ಸ್ಥಾನಮಾನ, ಹೆಚ್ಚಿನ ಅಂಕ, ಉತ್ತಮವಾದ ಮನೆ; ಹೀಗೆ ಯಾವ ವಿಷಯಕ್ಕಾದರೂ ನಮ್ಮಲ್ಲಿ ನಮಗೆ ಆಪ್ತರಾಗಿರುವವರಿಗಿಂತ ಹೆಚ್ಚಾಗಿದ್ದರೆ ಈ ಅರಿಮೆಯು ಬರಬಹುದು.

ಇದಕ್ಕೆ ಮಾಡಬೇಕಾದುದೇನು? ಮುಖ್ಯವಾಗಿ ನಾವು ಯಾರ ಬಗ್ಗೆ ಹಾಗೆ ಯೋಚಿಸುತ್ತಿರುತ್ತೇವೆಯೋ ಅವರಿಗೆ ಆ ರೀತಿಯಲ್ಲಿ ನಮ್ಮ ಬಗ್ಗೆ ಭಾವನೆಗಳಿರುವುದಿಲ್ಲ ಎಂಬುದನ್ನು ಆಲೋಚಿಸಬೇಕು. ಹಾಗೆಯೇ, ನಾವು ಉದ್ದೇಶಪೂರ್ವಕವಾಗಿ ನಮ್ಮ ಏಳ್ಗೆಯನ್ನು ಕೆಳಗಿಳಿಸಿಕೊಳ್ಳದೇ ಅವರಿಗೆ ನೆರವಾಗಬೇಕು, ನಮ್ಮ ಅಹಂಕಾರವು ಎಂದಿಗೂ ಅವರಿಗೆ ನೋವನುಂಟು ಮಾಡಬಾರದು ಎಂಬ ಪ್ರಜ್ಞೆಯನ್ನು ಸದಾ ಎಚ್ಚರದಲ್ಲಿಟ್ಟುಕೊಂಡಿರಬೇಕು. ನಮ್ಮ ಏಳ್ಗೆಗೆ ಕಾರಣವಾಗಿರುವ ಅಂಶಗಳನ್ನು ಗುರುತಿಸಿಕೊಂಡು ಅವರಲ್ಲಿ ಕೊರತೆಯಾಗಿರುವ ಅಂಶಗಳನ್ನು ಪೂರೈಸುವ ಅಥವಾ ನೆರವಾಗುವ ಮೂಲಕ ಈ ಬಗೆಯ ಅಪರಾಧದ ಅರಿಮೆಯನ್ನು ತೊಡೆದುಕೊಳ್ಳಬಹುದು.

ಇಲ್ಲಿ ನಾವು ಗಮನಿಸಬೇಕಾಗಿರುವ ವಿಷಯವೆಂದರೆ ಎಲ್ಲಾ ಅರಿಮೆಗಳೂ ಮಾನಸಿಕವಾಗಿರುವುದಾದರೂ ಅವೆಲ್ಲವೂ ಮಾನಸಿಕ ಸಮಸ್ಯೆ ಆಗಿರಲೇ ಬೇಕೆಂದಿಲ್ಲ. ಅಪರಾಧ ಪ್ರಜ್ಞೆಯಂತಹ ಅರಿಮೆಗಳು ವ್ಯಕ್ತಿಯ ಮತ್ತು ಸಮಾಜದ ಸ್ವಾಸ್ಥ್ಯಕ್ಕೆ ಅನುಕೂಲಕರವಾಗಿಯೂ ಪರಿಣಮಿಸಲು ಸಾಧ್ಯ. ಒಟ್ಟಾರೆ, ತನ್ನ ತಾನು ತಿಳಿಯುವ ನಿಟ್ಟಿನಲ್ಲಿ ಕೆಲಸ ಮಾಡಿದರೆ, ಸಹಜವಾಗಿ ತನ್ನ ವರ್ತನೆ ಮತ್ತು ಪ್ರತಿಕ್ರಿಯೆಗಳನ್ನು ತಿಳಿಯಲು ಸಾಧ್ಯವಾಗುತ್ತದೆ. ಅದರ ಮೂಲಕ ತಾನು ಯಾವ ಬಗೆಯ ಅರಿಮೆಗೆ ಒಳಗಾಗಿದ್ದೇನೆ ಮತ್ತು ಅದರಿಂದ ಹೊರಗೆ ಬರಲು ಏನು ಕೆಲಸ ಮಾಡಬೇಕು ಎಂಬುವುದರ ಬಗ್ಗೆ ಸಕಾರಾತ್ಮಕವಾಗಿ ಕೆಲಸ ಮಾಡಲು ಕೂಡಾ ಸಾಧ್ಯವಾಗುತ್ತದೆ. ಅದು ವ್ಯಕ್ತಿಗೂ ಹಿತವೇ, ಸಮಾಜಕ್ಕೂ ಹಿತವೇ.

(ಮುಂದುವರಿಯುವುದು)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ

ಮರೆಯಾದ ಅಪೂರ್ವ ಚಿತ್ರಕಲಾ ಪ್ರತಿಭೆ ‘ಶೋಭಾ ಕರಣಿಕ್’

Published

on

ಶೋಭಾ ಕರಣಿಕ್
  • ಡಾ.ಎನ್.ಕೆ.ಪದ್ಮನಾಭ, ಸಹಾಯಕ ಪ್ರಾಧ್ಯಾಪಕರು, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ,ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರ,ಉಜಿರೆ

ವರು ಬಿಡಿಸುತ್ತಿದ್ದ ರೇಖೆಗಳು ನಮ್ಮ ದೇಶೀ ಸಂಸ್ಕೃತಿಯ ವಕ್ತಾರಿಕೆಯ ಪಾತ್ರ ನಿರ್ವಹಿಸುತ್ತಿದ್ದವು. ಕನ್ನಡದ್ದೇ ಆದ ಕಲಾತ್ಮಕ ಪರಂಪರೆಯನ್ನು ಸೂಕ್ಷ್ಮವಾಗಿ ಗ್ರಹಿಸಿದ್ದ ಅವರ ಚಿತ್ರಗಳು ಜೀವಂತಿಕೆಯ ಗುಣಲಕ್ಷಣದೊಂದಿಗೆ ಕಂಗೊಳಿಸುತ್ತಿದ್ದವು.

ಸಾಂಪ್ರದಾಯಿಕ ಚಿತ್ರಶೈಲಿಯನ್ನು ಆಧುನಿಕ ಅಗತ್ಯಗಳಿಗೆ ತಕ್ಕಂತೆ ಮಣಿಸಿ ಪರಂಪರೆಯೊಳಗೇ ಅಡಗಿದ್ದ ಮೌಲಿಕ ಮಾದರಿಗಳನ್ನು ಮನಗಾಣಿಸುವ ಶ್ರದ್ಧೆಯೊಂದಿಗೇ ಅವರು ಚಿತ್ರವಿನ್ಯಾಸ ರೂಪಿಸುತ್ತಿದ್ದರು. ಇನ್ಸ್ಟಾಗ್ರಾಮ್, ಫೇಸ್‌ಬುಕ್ ಮತ್ತಿತರ ಮಾಧ್ಯಮಗಳ ಮೂಲಕ ತಮ್ಮ ಚಿತ್ರಗಳನ್ನು ಕಾಣಿಸುತ್ತಿದ್ದರು. ಪರಂಪರೆ ಮತ್ತು ವರ್ತಮಾನವನ್ನು ಬೆಸೆದು ಹೊಸ ಬಗೆಯ ಚಿತ್ರಪ್ರಯೋಗಗಳನ್ನು ನಡೆಸುವ ಹುಮ್ಮಸ್ಸಿನೊಂದಿಗೆ ಚಿತ್ರಕಲಾಯಾನ ಮುಂದುವರೆಸಿದ್ದರು. ಅವರ ಹೆಸರು ಶೋಭಾ ಕರಣಿಕ್.

ಇತ್ತೀಚೆಗಷ್ಟೇ ಅವರ ಚಿತ್ರಕಲಾಯಾನ ನಿಂತಿತು. ಅವರ ನಿಧನವು ವಿನೂತನವಾದ ಪ್ರಯೋಗಶೀಲ ಚಿತ್ರಕಲಾ ಸಾಧ್ಯತೆಗಳನ್ನು ತಡೆದು ನಿಲ್ಲಿಸಿತು. ಪುರಾಣದ ಕಥನ ಪ್ರಸಂಗಗಳಲ್ಲಿ ಉಲ್ಲೇಖಿತ ದೇವರು-ದೇವತೆಗಳ ಅಸ್ಮಿತೆ ಮತ್ತು ದೇಸೀ ಸಂಸ್ಕೃತಿಯನ್ನು ಬಿಂಬಿಸುವ ವಿನ್ಯಾಸಗಳನ್ನು ಸಮನ್ವಯಗೊಳಿಸಿ ಚಿತ್ರಕಲೆಗೆ ಹೊಸ ಆಯಾಮ ತಂದುಕೊಟ್ಟ ಪ್ರತಿಭೆಯಾಗಿ ಶೋಭಾ ಕರಣಿಕ್ ಅವರದ್ದು ವಿಶೇಷ ವ್ಯಕ್ತಿತ್ವವಾಗಿತ್ತು. ಮ್ಯೂರಲ್ ಪೇಂಟಿಂಗ್‌ನಲ್ಲಿ ಅವರಿಗಿದ್ದ ಪರಿಣತಿ, ಉತ್ತರ ಕನ್ನಡದ ಕಾವಿ ಕಲೆಯ ಕುರಿತಾದ ವಿಸ್ತೃತ ಜ್ಞಾನವು ಚಿತ್ರಕಲೆಯನ್ನು ಉನ್ನತೀಕರಿಸುವುದಕ್ಕೆ ಅವರಿಗೆ ನೆರವಾಗಿತ್ತು.

ಕಲೆಯ ಜೊತೆಗಿನ ಅನುಸಂಧಾನದ ಕ್ಷಣಗಳು ಅಪೂರ್ವ. ಒಂದು ನಿರ್ದಿಷ್ಟ ನಿರ್ಣಾಯಕ ಸಂದರ್ಭ, ಸಮಯದಲ್ಲಿ ಕಲೆಯೊಂದು ವ್ಯಕ್ತಿತ್ವವನ್ನು ಪ್ರಭಾವಿಸಿ ಸೃಜನಶೀಲತೆಯ ಹಸಿವನ್ನು ನೆಲೆಗೊಳಿಸುವುದಕ್ಕೆ ಪ್ರೇರಣೆಯಾಗುತ್ತದೆ. ಕಲೆಯ ಪ್ರಭಾವ ಎರಡು ಬಗೆಯದ್ದು. ಸಹೃದಯರನ್ನು ತನ್ನ ಕಲಾತ್ಮಕ ಮಾದರಿಗಳಿಂದ ಸೆಳೆದು ಅವರೊಳಗೆ ವಿಶೇಷ ಅನುಭೂತಿ ಧಾರೆ ಎರೆಯುವಂಥದ್ದು ಒಂದು ಬಗೆಯಾದರೆ ಹೀಗೆ ಸೆಳೆದುಕೊಂಡು ಮತ್ತೆ ಮತ್ತೆ ಪ್ರಭಾವಿಸುತ್ತಾ ಸಹೃದಯರನ್ನೇ ಕಲಾವಿದರನ್ನಾಗಿಸುವ ಸಾಧ್ಯತೆ ಮತ್ತೊಂದು ತೆರನಾದದ್ದು.

ಈ ಕಾರಣಕ್ಕಾಗಿಯೇ ಕಲಾತ್ಮಕ ಸಂಭವನೀಯತೆಯು ಅನನ್ಯವೆನ್ನಿಸಿಕೊಂಡಿದೆ. ಇಂಥ ಅನನ್ಯತೆಯೊಂದಿಗೇ ಶೋಭಾ ಕರಣಿಕ್ ಗುರುತಿಸಿಕೊಂಡಿದ್ದರು. ಅವರು ಓದಿದ್ದು ತಾಂತ್ರಿಕ ವಿಜ್ಞಾನ. ಆದರೆ, ಅವರ ನಿಜದ ಪ್ರತಿಭೆ ಅಭಿವ್ಯಕ್ತವಾದದ್ದು ಚಿತ್ರಕಲೆಯ ಮೂಲಕ.

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಪರಿಸರದಲ್ಲಿ ಬೆಳೆದ ಶೋಭಾ ಕರಣಿಕ್ ಮೊದಲಿನಿಂದಲೂ ದೇಶೀ ಕಲೆಯ ಕುರಿತು ವಿಶೇಷ ಆಸಕ್ತಿಯನ್ನು ಬೆಳೆಸಿಕೊಂಡು ಬಂದಿದ್ದರು. ಹೈಸ್ಕೂಲ್ ಓದುತ್ತಿರುವಾಗಲೇ ಕಾವಿಕಲೆಯ ವಿನ್ಯಾಸ ಅವರನ್ನು ಸೆಳೆದಿತ್ತು. ಇವುಗಳನ್ನು ಮತ್ತೆ ಮತ್ತೆ ನೋಡುತ್ತಾ ಹೋದಂತೆಲ್ಲಾ ಕಾವಿ ಕಲೆಯ ಕುರಿತ ಆಕರ್ಷಣೆ ಕಲಿಕೆಯ ಹಂಬಲವಾಗಿ ಮಾರ್ಪಟ್ಟಿತು. ಉತ್ತರ ಕನ್ನಡದ ಟೆಂಪಲ್ ರ‍್ಟ್ ಪ್ರಕಾರದ ಭಾಗವಾಗಿ ಕಾವಿ ಕಲೆಯನ್ನು ಪರಿಚಯಿಸುವ ದೃಷ್ಟಿಯಿಂದ ಅವರು ರಚಿಸಿದ್ದ ತರಹೇವಾರಿ ವಿನ್ಯಾಸಗಳು ವಿವಿಧ ಚಿತ್ರಕಲಾ ಪ್ರದರ್ಶನ ಕಾರ್ಯಕ್ರಮಗಳಲ್ಲಿ ಗಮನ ಸೆಳೆದಿದ್ದವು.

ಕಾವಿ ಕಲೆಯೂ ಸೇರಿದಂತೆ ನಮ್ಮ ಸಾಂಪ್ರದಾಯಿಕ ಕಲೆಗಳು ಈ ಹಿಂದಿನ ಕಾಲದ ತಲೆಮಾರನ್ನಷ್ಟೇ ಪ್ರಭಾವಿಸಿದ್ದಲ್ಲದೇ ನಂತರದ ಹೊಸ ಪೀಳಿಗೆಯನ್ನೂ ಆಕರ್ಷಿಸುವ ಗುಣ ಹೊಂದಿವೆ. ಮೂಲ ಅಂತಃಸತ್ವಕ್ಕೆ ಧಕ್ಕೆಯೊದಗದ ಹಾಗೆ ಹೊಸ ಕಾಲದ ಅಗತ್ಯಗಳಿಗೆ ಅನುಗುಣವಾಗಿ ಈ ಸಾಂಪ್ರದಾಯಿಕ ಚಿತ್ರಕಲಾ ವಿನ್ಯಾಸಗಳನ್ನು ಮರುರೂಪಿಸಬಹುದು. ಹೊಸ ಕಾಲದಲ್ಲಿ ಅವುಗಳ ಮಹತ್ವವನ್ನು ಮನಗಾಣಿಸಬಹುದು ಎಂಬುದು ಅವರ ಆಶಯವಾಗಿತ್ತು.

ಕಲೆಯೊಂದು ಒಂದು ಕಾಲದಿಂದ ಮತ್ತೊಂದು ಕಾಲಕ್ಕೆ ದಾಟಿಕೊಳ್ಳುವಾಗ ಪಲ್ಲಟಗಳು ಸಹಜ. ಈ ಪಲ್ಲಟಗಳನ್ನು ದೃಷ್ಟಿಯಲ್ಲಿರಿಸಿಕೊಂಡು ಇಂತಹ ಕಲೆಗಳಿಗೆ ಹೊಸಕಾಲದಲ್ಲೂ ಜೀವಂತಿಕೆಯನ್ನು ತಂದುಕೊಡುವ ಪ್ರಯತ್ನದ ಅಗತ್ಯವನ್ನು ಮನಗಾಣಿಸುವುದಕ್ಕಾಗಿಯೇ ಶೋಭಾ ಕರಣಿಕ್ ಅವರು ಚಿತ್ರಕಲಾ ರಚನೆಯ ವೈವಿಧ್ಯಮಯ ಪ್ರಯೋಗಗಳಲ್ಲಿ ತೊಡಗಿಸಿಕೊಂಡಿದ್ದರು.

ಅವರ ನಿಧನದಿಂದ ಈ ಪ್ರಯೋಗಶೀಲ ಹೆಜ್ಜೆಗಳು ನಿಂತಂತಾಗಿವೆ. ಆದರೆ, ಅವರು ಪರಂಪರೆ ಮತ್ತು ವರ್ತಮಾನವನ್ನು ಸಮನ್ವಯಗೊಳಿಸಿ ಸಾಬೀತುಪಡಿಸಿದ ಅಪೂರ್ವ ಚಿತ್ರಕಲಾ ಪ್ರಯೋಗಶೀಲತೆಯ ಜೀವಂತಿಕೆ ಹೊಸ ಪೀಳಿಗೆಗೆ ಸದಾ ಸ್ಫೂರ್ತಿಯ ಸೆಲೆಯಾಗಿರುತ್ತದೆ. ಅವರ ಹೆಸರಿನ ಇನಸ್ಟಾಗ್ರಾಂನಲ್ಲಿ ಕಾಣಿಸಿಕೊಂಡಿರುವ ಚಿತ್ರಗಳು ಇಂಥ ಸ್ಫೂರ್ತಿಯ ಪ್ರಭೆಯನ್ನು ದಾಟಿಸುತ್ತಿವೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

ಹೊಸತನದ ಹೊಸ್ತಿಲಲ್ಲಿ..!

Published

on

ಬರಹ : ಮೀನಾಕ್ಷಿ. ಬಿ
  • ಮೀನಾಕ್ಷಿ .ಬಿ, ಎಂ. ಎ ವಿದ್ಯಾರ್ಥಿನಿ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ, ದಾವಣಗೆರೆ ವಿಶ್ವವಿದ್ಯಾಲಯ

ಹೊಸವರ್ಷ ವೆಂಬುದು ಪ್ರತಿಯೊಬ್ಬರ ಬಾಳಲ್ಲಿ ವರ್ಷಕ್ಕೊಮ್ಮೆ ಬರುವ ಹೊಸದಿನಗಳ ಆಗಮನ ಯಾಕೆಂದರೆ ಹೊಸತನವನ್ನು ತರುತ್ತಾ ಇರುವ ಹೊಸವರ್ಷ ಕೂಡ ಒಂದು ಜೀವನದ ಭರವಸೆ, ನಿರೀಕ್ಷೆ ಕನಸುಗಳ ಬಂಡಿಯ ಮೇಲೆ ಸಾಗುವ ಪ್ರಯಾಣ ನಮ್ಮ ಜೀವನ.

ವ್ಯಕ್ತಿಯ ನಂಬಿಕೆಯ ಆಧಾರದ ಮೇಲೆಯೇ ಜೀವನ ಸಾಗುಸುತ್ತಿರುವುದು.ಯಾಕೆಂದರೆ ಪ್ರತಿಯೊಬ್ಬ ವ್ಯಕ್ತಿಯ ಜೀವನದಲ್ಲಿಯೂ ಕೂಡ ಕಷ್ಟ -ಸುಖ ದುಃಖದ ಸಂಗತಿಗಳು ಇದ್ದೆ ಇರುತ್ತದೆ. ಕೆಲವೊಂದು ಬಾರಿ ಹತಾಶೆಯನ್ನು ಹೊಂದಿ ಜೀವನದಲ್ಲಿ ಜಿಗುಪ್ಸೆ ಒಂದು ಕೆಟ್ಟ ನಿರ್ಧಾರಕ್ಕೆ ಮನಸ್ಸು ದಾರಿ ಮಾಡಿಕೊಡುತ್ತದೆ. ಹಾಗೆಯೇ ಕಷ್ಟ ಇದ್ದಲ್ಲಿ ಸುಖವಿರುವುದುಂಟು ಅನ್ನುವ ಹಾಗೇ ಇವತ್ತಲ್ಲ ನಾಳೆ ಒಳ್ಳೆಯ ದಿನಗಳು ನಮ್ಮ ಜೀವನದಲ್ಲಿ ಬರಬಹುದೆಂಬ ಭರವಸೆ,ಆತ್ಮವಿಶ್ವಾಸವನ್ನು ಇಟ್ಟುಕೊಂಡು ಜೀವನ ನಡೆಸುತ್ತಲೇ ಇದ್ದೇವೆ.

ಈ ವರ್ಷ ಒಳ್ಳೆಯದಾಗಿಲ್ಲ ಅಂದರೆ ಏನು ಮುಂದಿನ ವರ್ಷ ಆದರೂ ನನ್ನ ಬದುಕು ಬದಲಾಗಬಹುದು ಎಂಬ ಹೊಸತನವನ್ನು ನಮ್ಮಲ್ಲಿ ಭರವಸೆ,ನಂಬಿಕೆಯ ಬೇರಿನೊಂದಿಗೆ ಬೆರೆಸಿಕೊಂಡು ಬದುಕಬೇಕು.ನಾಳೆಯ ದಿನಗಳ ಮೇಲಿನ ಅನಿರೀಕ್ಷಿತ ತೀರಿವಿನಿಂದಾಗುವ ಬದುಕಿನಲ್ಲಾಗುವ ಬದಲಾವಣೆ ಹೊಸತನದ ಚಾಪನ್ನು ಮೂಡಿಸುತ್ತದೆ.
ಎಂಥ ಹತಾಶ ಮನಸ್ಥಿತಿಯವರಲ್ಲೂ ಹೊಸವರ್ಷ ಭರವಸೆಯ ಅಭಯ ಹಸ್ತವನ್ನು ಚಾಚುತ್ತದೆ. ಅದೆಲ್ಲಿಂದಲೇ ಆತ್ಮ ವಿಶ್ವಾಸದ ಬೆಳಕಿನ ಕಿಡಿಯೊಂದು ಕಾಣಿಸಿಕೊಳ್ಳುತ್ತದೆ.

ಹೊಸವರ್ಷವೆಂಬುದು ಕೇವಲ ಸಂಭ್ರಮದ ಕಾಲ ಮಾತ್ರವಲ್ಲ. ಕಳೆದ ದಿನಗಳತ್ತ ಹಿಂತಿರುಗಿ ನೋಡುವ ಸಮಯ ಕೂಡ ಹಿಂದಿನ ದಿನಗಳ ಪುಟಗಳನ್ನು ತೆಗೆದು ನೋಡಿದರೆ. ಉತ್ಸಾಹದ ಗಳಿಗೆಗಳು ಮುಂದಿನ ಕೆಲಸಗಳಿಗೆ ಚೈತನ್ಯ, ಉತ್ಸಾಹ ನೀಡಬಲ್ಲದು.ನಮ್ಮ ದಿಕ್ಕಿಲ್ಲದ ದಾರಿಗೆ ಖಚಿತ ದಿಕ್ಕು ದಾರಿಯನ್ನು ತೋರಬಲ್ಲದು.

ಜೀವನದ ಪ್ರಯಾಣಕ್ಕೆ ಒಂದು ನಿಲ್ದಾಣವಾಗಿದೆ. ನಾವು ಕಾಣುವ ಕನಸಗಳು ಕನಸಾಗಿಯೇ ಉಳಿದಿದೆ ಯಾಕೆಂದರೆ ನಮ್ಮಲ್ಲಿನ ಬೇಜವಾಬ್ದಾರಿ, ನಿರ್ಲಕ್ಷತನ ಆಮೇಲೆ ಮಾಡಿದರೆ ಆಯ್ತು ಅನ್ನೋ ಮನೋಭಾವನೆ ಯಾವುದರ ಬಗ್ಗೆಯೂ ಆಸಕ್ತಿ ಕೊಡದೆ ಇರೋದು ಎಲ್ಲವು ನಮ್ಮ ಕನಸಿನ ಜೀವನ ರೂಪಿಸಿಕೊಳ್ಳುವಲ್ಲಿ ಸಫಲರಾಗದೆ ಉಳಿಯಲು ಕಾರಣ.

ಮೊದಲು ಆತ್ಮವಿಶ್ವಾಸ ಬೇಕು ನಾನು ಈ ಕೆಲಸವನ್ನು ಮಾಡುವೆ ಎಂಬ ಒಂದು ನಿರ್ಧಿಷ್ಟ ಗುರಿ ಇರಬೇಕು ಅಂಗಿದ್ರೆ ಅಷ್ಟೇ ಜೀವನದ ಪಯಣದ ಹಾದಿಯಲ್ಲಿ ಯಶಸ್ಸನ್ನು ಕಾಣಲು ಸಾಧ್ಯ ಇಲ್ಲವಾದಲ್ಲಿ ಸೋಲನ್ನು ಅನುಭವಿಸುವ ಪರಿಸ್ಥಿತಿ ಎದುರಾಗುತ್ತದೆ. ಮುಂದಿನ ದಿನಗಳ ಆಗಮನದೊಂದಿಗೆ ನಾವು ಕಂಡ ಕನಸನ್ನು ಈಡೇರಿಸಿಕೊಳ್ಳುವ ಸತತ ಪ್ರಯತ್ನದೊಂದಿಗೆ ಬರುವ ದಿನವನ್ನು ಸ್ವಾಗತಿಸಿಕೊಳ್ಳೋಣ.
ಎಲ್ಲರ ಬಾಳಲಿ ಹರುಷ ,ಸಂತೋಷ ಮನೆಮಾಡಲಿ ಎಂದು ಆಶಿಸುತ್ತಾ ಎಲ್ಲರಿಗೂ ಹೊಸವರ್ಷದ ಶುಭಾಶಯಗಳು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

ಕಾಮರೂಪದ ಪ್ರಭಾಕರ

Published

on

  • ಪ್ರೊ.ರಹಮತ್ ತರೀಕೆರೆ

ನಾನು ಕೋಲಾರಕ್ಕೆ ಹೋದಾಗೆಲ್ಲ ಎರಡು ಜಾಗಗಳಿಗೆ ತಪ್ಪದೆ ಭೇಟಿ ಕೊಡುತ್ತೇನೆ. ಒಂದು-ಕೆ.ರಾಮಯ್ಯ ಮತ್ತವರ ಸಂಗಾತಿಗಳು ಸೇರಿ ತೇರುಹಳ್ಳಿ ಬೆಟ್ಟದ ಮೇಲೆ ಕಟ್ಟಿರುವ `ಆದಿಮ’ಕ್ಕೆ; ಇನ್ನೊಂದು-`ಕಾಮರೂಪಿ’ ಎಂಬ ಹೆಸರಲ್ಲಿ ಬರೆಯುತ್ತಿದ್ದ ಕನ್ನಡ ಲೇಖಕ ಡಾ. ಎಂ.ಎಸ್. ಪ್ರಭಾಕರ ಅವರಿರುವ ಕಠಾರಿಪಾಳ್ಯದ ಮನೆಗೆ. 50ರ ದಶಕದ ಕೊನೆಯಲ್ಲಿ ಕರ್ನಾಟಕ ಬಿಟ್ಟುಹೋದ ಪ್ರಭಾಕರ, ‘ಹಿಂದೂ’ ಪತ್ರಿಕೆಯ ವರದಿಗಾರರಾಗಿ ಆಫ್ರಿಕಾ ಅಮೇರಿಕ ಬಾಂಗ್ಲಾದೇಶ ಈಶಾನ್ಯ ಭಾರತವನ್ನೆಲ್ಲ ಅಲೆದಾಡಿ, ಕಡೆಗೆ ಕಾಮರೂಪದಲ್ಲಿ (ಅಸ್ಸಾಮಿನ ಪುರಾತನ ಹೆಸರಿದು) ನೆಲೆಸಿಬಿಟ್ಟರು.

`ಕಾಮರೂಪ’ ಶಬ್ದಕ್ಕೆ ಬಯಸಿದ ರೂಪಧಾರಣೆ ಮಾಡುವ ಮಾಯಾವಿ ವಿದ್ಯೆ ಎಂಬರ್ಥವೂ ಇದೆ. ಎಂಬತ್ತರ ಪ್ರಾಯದಲ್ಲಿ ಕರ್ನಾಟಕಕ್ಕೆ ಮರಳಿ ಬಂದಿರುವ ಪ್ರಭಾಕರ ಅವರು, ತಾವು ಹುಟ್ಟಿಬೆಳೆದ ಮನೆಯಲ್ಲಿ ಬಿಡಾರ ಹೂಡಿದ್ದಾರೆ. ಹಿರೀಕರು ಕಟ್ಟಿದ ದೊಡ್ಡಮನೆ. ಮನೆಯೊಳಗೊಂದೇ ಜೀವ; ಮನೆ ತುಂಬ ಪುಸ್ತಕದ ರಾಶಿ (ಹೆಚ್ಚಿನವು ಇಂಗ್ಲೀಶ್ ಬಂಗಾಳಿ ಅಸ್ಸಾಮಿ). ನಟ್ಟನಡುವಿರುವ ಹಾಲಿನ ಮೂಲೆಯಲ್ಲಿ ಬೀದಿಗೆ ಬೆನ್ನುಕೊಟ್ಟಂತೆ ಕೂತು, ಲ್ಯಾಪ್‌ಟಾಪಿನಲ್ಲಿ ಬರೆಯುತ್ತ, ವೆಬ್‌ಸೈಟುಗಳನ್ನು ಜಾಲಾಡುತ್ತ, ಬ್ಲಾಗುಗಳನ್ನೋದುತ್ತ ಪ್ರಭಾಕರ ಕುಳಿತಿರುತ್ತಾರೆ.

ಅವರ ಮನಗೆ ಹೋದಾಗಲೆಲ್ಲ ನನಗೆ ರಾಗಿಮುದ್ದೆ ಸೊಪ್ಪಿನ ಸಾರಿನ ಊಟ ಸಿಗುತ್ತದೆ. ಅವರು ಉಣ್ಣುವುದೊಂದು ಅಪೂರ್ವ ದೃಶ್ಯ. ತಣಿಗೆಯ ನಡುವೆ ಹದವಾಗಿ ಬೆಂದು ಕಂಪು ಬೀರುವ ಗೋಂದಿನಂತಹ ಕೆಂಗಪ್ಪು ಬಣ್ಣದ ಬಿಸಿಮುದ್ದೆಯನ್ನಿಟ್ಟು, ಅದರ ತಲೆಯ ಮೇಲೆ ಶಿಖರವನ್ನು ಹಿಮವು ಅಲಂಕರಿಸುವಂತೆ ಬೆಣ್ಣೆಯ ಚೂರನ್ನಿಡುತ್ತಾರೆ; ಬೆಣ್ಣೆಯು ಮುದ್ದೆ ಕಾವಿಗೆ ಕರಗಿ ಇಡೀ ಚೆಂಡನ್ನು ಆವರಿಸಿ ಅಭಿಷೇಕ ಮಾಡಿಸಿಕೊಂಡ ಮೂರುತಿಯಂತೆ ಥಳಥಳ ಹೊಳೆಯುತ್ತದೆ. ಆಗ ಘಮಿಸುವ ಮುದ್ದೆಯನ್ನು ಚೆನ್ನಾಗಿ ಮಿದ್ದು, ಒಂದು ಬದಿಯಿಂದ ಇಷ್ಟಿಷ್ಟೇ ಮುರಿದು ತುತ್ತು ಮಾಡಿ, ಸೊಪ್ಪಿನ ಗಟ್ಟಿಸಾರಲ್ಲಿ ಹೊರಳಾಡಿಸಿ ಗುಕ್ಕನೆ ನುಂಗಿ ಕಣ್ಮುಚ್ಚಿ ಕೊಳ್ಳುತ್ತಾರೆ. ತರುವಾಯ ಶ್ರೀಯುತರು ಜ್ಞಾನೋದಯವಾದ ಸಿದ್ಧನಂತೆ ಅವರ ಮುಖದಲ್ಲಿ ಪರಮಾನಂದದ ಒಂದು ಕಳೆ ಆವಿರ್ಭವಿಸುತ್ತದೆ. ಇದನ್ನೆಲ್ಲ ಕಾಣುವಾಗ, ಲೋಕವನ್ನೆಲ್ಲ ಸುತ್ತಾಡಿರುವ ಇವರು ಕೋಲಾರಕ್ಕೆ ಮುದ್ದೆಸುಖಕ್ಕಾಗಿಯೆ ಬಂದರೇನೊ ಎಂದು ಶಂಕೆ ಬರುತ್ತದೆ. ಪ್ರಭಾಕರ ಅವರಿಗೆ ಆಧುನಿಕ ಕನ್ನಡ ಸಾಹಿತ್ಯದ ಮೇಲೆ ಅನೇಕ ದೂರುಗಳಿವೆ. ಅವುಗಳಲ್ಲಿ ಆಹಾರ ತಯಾರಿಕೆ ಮತ್ತು ಸೇವನೆ ಕುರಿತು ಅದರಲ್ಲಿ ವಿವರಗಳೇ ಇಲ್ಲ ಎಂಬುದೂ ಒಂದು.

ಕನ್ನಡದ ಅತಿಹಿರಿಯ ಮತ್ತು ಹೆಚ್ಚು ಬರೆಯದ ಲೇಖಕರಲ್ಲಿ ಪ್ರಭಾಕರ ಅವರೂ ಒಬ್ಬರು. ನಾನು ಅವರ ‘ಕುದುರೆಮೊಟ್ಟೆ’ ಕಾದಂಬರಿಯನ್ನೂ ‘ಒಂದು ತೊಲ ಪುನುಗು ಮತ್ತು ಇತರ ಕತೆಗಳು’ ಸಂಕಲನವನ್ನೂ ಓದಿದ್ದೆ. ಇವುಗಳಲ್ಲಿ ‘ಕುದುರೆ ಮೊಟ್ಟೆ’ ಈಗಲೂ ಪ್ರಿಯವಾದ ಪುಸ್ತಕ. ಅದರಲ್ಲಿರುವ ಕೆಲವು ಪಾತ್ರಗಳು ಕೊಂಚ ವಿಕ್ಷಿಪ್ತವಾಗಿವೆ; ಅಲ್ಲಿನ ಬಾಳಿನ ಸನ್ನಿವೇಶಗಳೂ ಅನಿರೀಕ್ಷಿತವಾಗಿವೆ. ಆದರೆ ಎಲ್ಲಿಯೂ ಹುಸಿ ಅನಿಸದಂತೆ, ಒಂದೇ ಶಬ್ದ ಅಪವ್ಯಯವಾಗದಂತೆ ಅದನ್ನು ಬರೆಯಲಾಗಿದೆ. ಪಾತ್ರಗಳನ್ನು ತಮ್ಮ ಸಿದ್ಧಾಂತಕ್ಕೆ ತಕ್ಕಂತೆ ಮಣಿಸಿ ಕೈಗೊಂಬೆಯಂತೆ ಆಡಿಸುತ್ತ, ಕೆಲವನ್ನು ಮುದ್ದಾಮಾಗಿ ದುರುಳಗೊಳಿಸಿ ಕಲೆಯ ಜಾಣಮುಸುಕಿನಲ್ಲಿ ಅಡಗಿಸುತ್ತ, ಕೆಲವು ಕಾದಂಬರಿಗಳು ಕನ್ನಡದಲ್ಲಿ ಪ್ರಕಟವಾಗುತ್ತಿವೆ. ಇಂತಹ ಹೊತ್ತಲ್ಲಿ ಅರ್ಧ ಶತಮಾನದ ಹಿಂದೆ ಪ್ರಕಟವಾದ ಈ ಕಾದಂಬರಿ, ಬಾಳನ್ನು ಕುರಿತು ತೋರುವ ಕಕ್ಕುಲಾತಿ ಕಂಡು ಖುಶಿಯಾಗುತ್ತದೆ. ಕತೆಗಾರರಿಗೆ ತಾವು ಸೃಷ್ಟಿಸುವ ಕೆಲವು ಪಾತ್ರಗಳ ಮೇಲೆ ಕೊಂಚ ಭಾವ ಪಕ್ಷಪಾತವಿರುತ್ತದೆ. ಆದರೆ ತಾವು ಸೃಜಿಸುವ ಎಲ್ಲ ಪಾತ್ರಗಳನ್ನು ತಾಯಿಯಂತೆ ನೋಡುವುದು ಬರೆಹದ ನೈತಿಕತೆ. ಈ ಸಂಗತಿ ಕುವೆಂಪು ಮತ್ತು ಟಾಲ್ ಸ್ಟಾಯ್ ಕಾದಂಬರಿ ಓದಿದವರಿಗೆ ಗೊತ್ತಿದೆ.

ಕಾಮವನ್ನು ಇಟ್ಟುಕೊಂಡು ಜೀವನದ ಸತ್ಯಗಳನ್ನು ಶೋಧಿಸುವ ವಿಷಯದಲ್ಲಿ ಕಾಮರೂಪಿಯವರು, ಒಬ್ಬ ಟಿಪಿಕಲ್ ನವ್ಯಲೇಖಕರೇ. ಆದರೆ ನವ್ಯದ ಕೆಲವು ಲೇಖಕರಲ್ಲಿ ಕಾಣುವಂತೆ, ಅದಕ್ಕವರು ಅನಗತ್ಯ ಪ್ರಾಮುಖ್ಯ ಕೊಡುವುದಿಲ್ಲ. ಅದನ್ನು ಚಪ್ಪರಿಸುವುದಿಲ್ಲ. ವೈಭವೀಕರಿಸುವುದಿಲ್ಲ. ಬದಲಿಗೆ, ಮನುಷ್ಯರಾದವರು ಜೀವನದ ಇಕ್ಕಟ್ಟುಗಳಲ್ಲಿ ಸಿಲುಕಿ ಅನಿವಾರ್ಯವಾಗಿ ವರ್ತಿಸುವ ಪರಿಯನ್ನು ತಣ್ಣಗೆ ವ್ಯಂಗ್ಯವಾಗಿ ಚಿತ್ರಿಸುತ್ತಾ ಹೋಗುತ್ತಾರೆ. ಸತ್ಯಕ್ಕಿರುವ ಹಲವು ಮುಖಗಳನ್ನು ಹಿಡಿಯುವಂತಹ ಕುರುಸೋವಾನ ‘ರಶೋಮನ್’ ಸಿನಿಮಾ ನೆನಪಿಸುವ ಈ ಕಾದಂಬರಿ, ಮತ್ತೆಮತ್ತೆ ಓದಬೇಕು ಎನಿಸುವಷ್ಟು ತಾಜಾ ಆಗಿದೆ. ‘ಉಪಪತ್ತಿಯೋಗ’ ಎಂಬುದನ್ನು ಬಿಟ್ಟರೆ, ಉಳಿದಂತೆ ವ್ಯಕ್ತಿವಾದವನ್ನು ಅತಿಯಾಗಿ ಬಿಂಬಿಸುವ ತಂತ್ರದ ಬಿಗಿತದಲ್ಲಿರುವ ಅವರ ಕತೆಗಳು ಅಷ್ಟು ಆಪ್ತವೆನಿಸಿಲ್ಲ.

ನನಗೆ ಪ್ರಭಾಕರ್ ಕುರಿತು ಆಸಕ್ತಿ ಮೂಡಿಸಿದವರು ಮಾರ್ಕ್ಸ್‌ವಾದಿ ಚಿಂತಕ ಕೆ.ರಾಘವೇಂದ್ರರಾವ್ ಅವರು. ಅಮೆರಿಕೆಯ ವಿಶ್ವವಿದ್ಯಾಲಯಗಳಲ್ಲಿ ಕೆಲಸ ಮಾಡುತ್ತಿದ್ದ ಎ.ಕೆ.ರಾಮಾನುಜನರ ಹೊಂದಾಣಿಕೆಯ ಗುಣವನ್ನು ಕಟುವಾಗಿ ವಿಮರ್ಶಿಸುತ್ತ, ಅಲ್ಲಿನ ಶೈಕ್ಷಣಿಕ ಕ್ಷೇತ್ರದಲ್ಲಿರುವ ಬಿಳಿಯರ ಯಜಮಾನಿಕೆಗೆ ಬಾಗದೆ ಹೊರಬಂದ ಪ್ರಭಾಕರ ಅವರ ದಿಟ್ಟ ಸ್ವಭಾವವನ್ನು ಅವರು ತಮ್ಮ ಸಂದರ್ಶನದಲ್ಲಿ ಪ್ರಸ್ತಾಪಿಸಿದ್ದರು. ಪ್ರಭಾಕರ ಅವರನ್ನು ಭೇಟಿಯಾಗಬೇಕು ಎಂದು ಅನಿಸುತ್ತಿತ್ತು. ಅದರಲ್ಲೂ ಭಾರತದ ಶಾಕ್ತಪೀಠಗಳಲ್ಲಿ ಮುಖ್ಯವಾಗಿರುವ ಅಸ್ಸಾಮಿನ ಕಾಮಾಖ್ಯಕ್ಕೆ ಹೋಗಲು ಯತ್ನಿಸುತ್ತಿದ್ದ ನಾನು, ಅಲ್ಲೇ ಸಮೀಪದ ಗೌಹಾತಿಯಲ್ಲಿರುವ ಅವರನ್ನು ಕಾಣಲು ಹವಣಿಕೆ ಮಾಡಿಕೊಂಡಿದ್ದೆ. ಆದರೆ ಸಾರ್ವಜನಿಕ ವ್ಯಕ್ತಿಯಾಗಲು ನಿರಾಕರಿಸಿ ಅಜ್ಞಾತವಾಗಿಯೇ ಬಾಳುವ ಅವರು ಸುಲಭವಾಗಿ ಸಿಗುತ್ತಿರಲಿಲ್ಲ.

ನನ್ನ ತವಕವನ್ನರಿತಿದ್ದ ಕೆ.ರಾಮಯ್ಯ, ‘ಪ್ರಭಾಕರ್ ಕರ್ನಾಟಕಕ್ಕೆ ಬಂದಿದ್ದಾರೆ. ಬನ್ನಿ’ ಎಂದು ಅವರ ಮನೆಗೆ ಕರೆದುಕೊಂಡು ಹೋದರು. ಮಧ್ಯಾಹ್ನದ ಸುಡುಹೊತ್ತು. ಪ್ರಭಾಕರ ಪ್ರೀತಿಯಿಂದ ಬರಮಾಡಿಕೊಂಡು ನೊರೆ ತುಂಬಿದ ಒಗರು ಬೀರಿನ ಮಗ್ಗನ್ನು ಕೈಗೆ ಕೊಟ್ಟು, ಕಾಮಾಖ್ಯದ ಬಗ್ಗೆಯೂ ತಂತ್ರ ಪಂಥದ ಬಗ್ಗೆಯೂ ಇರುವ ಕೃತಿಗಳನ್ನು ತೋರಿಸುತ್ತ, ಗಂಟೆಗಟ್ಟಳೆ ಮಾತಾಡಿದರು. ಅರಿವಿನ ಕಿಡಿಗಳು ಹಾರುವ ಅದೊಂದು ವಿದ್ವತ್‌ಪೂರ್ಣ ಹರಟೆ.

ನಾನು ಅವರಲ್ಲಿ ಶಿಷ್ಯವೃತ್ತಿ ಸ್ವೀಕರಿಸಿ ಹಲವಾರು ಸಲ ಕೋಲಾರಕ್ಕೆ ಹೋಗಿ ಬಂದಿದ್ದೇನೆ. ಅವರ ಮಾತುಕತೆಗಳಲ್ಲಿ ನನಗೆ ಮುಖ್ಯವಾಗಿ ಕಂಡಿದ್ದು, ಜಾತ್ಯತೀತವಾದ ಮನಸ್ಸು; ಸಣ್ಣಪುಟ್ಟ ಸಂಗತಿಗಳ ಮೇಲೂ ಕಾಳಜಿಯಿಂದ ಸೂಕ್ಷ್ಮವಾಗಿ ಚಿಂತಿಸುವ ಮಾನವೀಯತೆ; ಗತಕಾಲದ ಬಗ್ಗೆ ಹಳಹಳಿಕೆಯಿಲ್ಲದೆ ವರ್ತಮಾನದ ಸಮಸ್ಯೆಗಳನ್ನು ಕುರಿತು ಚಿಂತಿಸುವ ಪ್ರಖರವೂ ನಿಷ್ಠುರವೂ ಆದ ರಾಜಕೀಯ ಪ್ರಜ್ಞೆ. ಸಾರ್ವಜನಿಕ ಬದುಕಿನಲ್ಲಿ ಜಾತಿಪದ್ಧತಿ ಎಲ್ಲೆಮೀರಿ ನಿರತವಾಗಿರುವ ಕುರಿತ ಹೇವರಿಕೆ. ಹಿರಿಯ ಲೇಖಕರಲ್ಲಿ ಸಾಮಾನ್ಯವಾಗಿ ಎರಡು ಸ್ವಭಾವಗಳಿರುತ್ತವೆ. ಒಂದು- ಕಳೆದುಹೋದ ಕಾಲದ ಬಗ್ಗೆ ಭಾವುಕ ಮರುಕಳಿಕೆ. ಎರಡು-ವರ್ತಮಾನದ ಸಾಮಾಜಿಕ ರಾಜಕೀಯ ವೈರುಧ್ಯಗಳನ್ನು ಉದಾರವಾಗಿ ನೋಡುತ್ತ, ಚಿಂತನೆಯ ಮೊನಚನ್ನು ಕಳೆದುಕೊಳ್ಳುವುದು. ಆದರೆ ಆತ್ಮಕ್ಕೆ ಸದಾ ಬೆಂಕಿ ಹತ್ತಿಸಿಕೊಂಡಂತೆ ಉರಿಯುವ ಕೆಲವರಿದ್ದಾರೆ. ಕೋಚೆ, ಕುಸುಮಾಕರ ದೇವರಗೆಣ್ಣೂರ, ಎಂ.ಡಿ. ನಂಜುಂಡಸ್ವಾಮಿ, ನೀಲಗಂಗಯ್ಯ ಪೂಜಾರ, ಕೆ.ರಾಘವೇಂದ್ರರಾವ್, ಅಬ್ಬಿಗೇರಿ ವಿರೂಪಾಕ್ಷಪ್ಪ, ಸಾರಾ ಅಬೂಬಕರ್, ಕಾಮರೂಪಿ ಪ್ರಭಾಕರ-ಇವರೆಲ್ಲ ಇಂತಹವರು. ಈ ಹಿರಿಯರ ಜತೆ ಮಾತಾಡುವಾಗ ಇವರ ಹಠಮಾರಿತನ, ಜಗಳಗಂಟಿತನ, ಆದರ್ಶವಾದ, ನೈತಿಕ ಪ್ರಜ್ಞೆ ಹಾಗೂ ಭಿನ್ನಮತ ಇಷ್ಟವಾಗುತ್ತದೆ.

ಕರ್ನಾಟಕದಿಂದ ಬಹುಕಾಲ ದೂರವಿದ್ದ ಕಾರಣದಿಂದ ಏರ್ಪಟ್ಟಿರುವ ಅಪರಿಚಿತತೆಯಿಂದಲೊ ಅಥವಾ ಕರ್ನಾಟಕದ ಒಳಗೇ ಇದ್ದೂಇದ್ದೂ ನಮಗೆ ಕಾಣದಂತಾಗಿರುವ ವೈರುಧ್ಯಗಳು ‘ಹೊರಗಿನಿಂದ’ ಬಂದಿರುವ ಅವರಿಗೆ ಒಡೆದು ಕಾಣುತ್ತಿರುವುದರಿಂದಲೊ, ಪ್ರಭಾಕರ ಕರ್ನಾಟಕದ ಸಮಕಾಲೀನ ಸಾಂಸ್ಕೃತಿಕ ರಾಜಕಾರಣದ ವೈರುಧ್ಯಗಳ ಬಗ್ಗೆ ತೀಕ್ಷ್ಣವಾದ ಟಿಪ್ಪಣಿ ಮಾಡುತ್ತಿರುತ್ತಾರೆ; ಕನ್ನಡಿಗರ ಸ್ವಭಾವದಲ್ಲೇ ವ್ಯಕ್ತಿನಿಷ್ಠೆಗಾಗಿ ವಿಮರ್ಶೆಯ ನಿಷ್ಠುರತೆ ಬಿಟ್ಟುಕೊಡುವ, ಸಜ್ಜನಿಕೆಯ ಭಾಷೆಯಲ್ಲಿ ವಾಸ್ತವವನ್ನು ಅಡಗಿಸುವ ಪ್ರವೃತ್ತಿಯಿದೆ ಎಂದು ಹೇಳುತ್ತಿರುತ್ತಾರೆ. ಸಂಘಟಕರೊಬ್ಬರು ಕಾರ್ಯಕ್ರಮವೊಂದಕ್ಕೆ ಕರೆಸಿಕೊಂಡು ಪರಿಚಯ ಭಾಷಣದಲ್ಲಿ ತಮ್ಮನ್ನು ಅತಿಯಾಗಿ ಹೊಗಳಿದ್ದನ್ನು ನೆನೆಯುತ್ತ ಅವರೊಮ್ಮೆ ಹೇಳಿದರು: “ಏನ್ ಸ್ವಾಮಿ ಕನ್ನಡಿಗರು? ಎಷ್ಟು ಉದಾರತೆ! ನನ್ನ ಬಗ್ಗೆ ಅವರಿಗೆ ಏನೂ ಗೊತ್ತಿಲ್ಲ. ನಾನು ಎಲ್ಲ ಸೇರಿದರೆ ನೂರೈವತ್ತು ಪುಟಗಳನ್ನೂ ಬರೆದಿಲ್ಲ. ಕನ್ನಡಕ್ಕೆ ದೊಡ್ಡ ಕೊಡುಗೆಯನ್ನು ಕೊಟ್ಟಿಲ್ಲ. ಆದರೂ ವಾಚಾಮಗೋಚರ ಹೊಗಳಿಬಿಟ್ಟರು. ಕರ್ನಾಟಕದಲ್ಲಿ ಮಾತಿಗೆ ಬೆಲೆಯೇ ಇದ್ದಂತಿಲ್ಲ.’’

ಇದನ್ನು ಕೇಳುವಾಗ ಈಚೆಗೆ ಕಲ್ಕತ್ತಾದಲ್ಲಿ ನಾನು ಕಂಡ, ಹಿರಿಯ ಲೇಖಕ ರುದ್ರಪ್ರತಾಪ ಸೇನರ ಸನ್ಮಾನ ಕಾರ್ಯಕ್ರಮ ನೆನಪಾಯಿತು. ಸೇನರಿಗೆ 75ವರ್ಷ ತುಂಬಿದ ನೆಪದಲ್ಲಿ ಇರಿಸಿಕೊಂಡಿದ್ದ ಆ ಕಾರ್ಯಕ್ರಮ ಎಷ್ಟು ವಿಮರ್ಶಾತ್ಮಕವಾಗಿತ್ತು ಎಂದರೆ, ಅವರ ಶಿಷ್ಯರು ತಮ್ಮ ಗುರುವಿನ ಜತೆ ಕೋರ್ಟ್ಮಾರ್ಶಲ್ ನಡೆಸುವವರ ಹಾಗೆ ಪ್ರಶ್ನೆ ಕೇಳುತ್ತಿದ್ದರು. ಸೇನರು ಆ ಕಟುತರ ಪ್ರಶ್ನೆಗಳಿಗೆಲ್ಲ ಪ್ರಾಮಾಣಿಕವಾಗಿ ದ್ವಂದ್ವವಿಲ್ಲದೆ ಉತ್ತರಿಸುತ್ತಿದ್ದರು. ಹಿರಿಯರ ತಲೆಗೆ ಅಭಿನಂದನ ಗ್ರಂಥಗಳ ಸರಮಾಲೆಯನ್ನು ತಂದು ಕಟ್ಟಿ, ಎಗ್ಗಿಲದೆ ಹೊಗಳಿ ವೈಭವೀಕರಿಸುವ ಪದ್ಧತಿಯಿರುವ ಕರ್ನಾಟಕದಲ್ಲಿ, ಈ ಪರಿಯ ನಿಷ್ಠುರತೆ ಕಲ್ಪಿಸಿಕೊಳ್ಳುವುದೇ ಕಷ್ಟ.

ತೋರುಗಾಣಿಕೆಯನ್ನು ಸದಾ ನಿರಾಕರಿಸುವ ಪ್ರಭಾಕರ ಅವರಲ್ಲಿ, ಅವರ ಖಂಡಿತವಾದಿ ನಿಲುವಿಗೆ ಅಷ್ಟೊಂದು ತಾಳೆಯಾಗದ ಇನ್ನೊಂದು ಮುಖವಿದೆ. ಅದೆಂದರೆ, ಜೀವನಪ್ರೀತಿಯ ಸಂಕೇತದಂತಿರುವ ತಮಾಶೆ ಮತ್ತು ಪೋಲಿತನ. ಈ ತಮಾಶೆಯ ಗುಣ ಅದ್ಭುತ ನಾಟಕೀಯ ಶೈಲಿಯಾಗಿ ಅವರ ಕಥೆ ಕಾದಂಬರಿಗಳಲ್ಲೆಲ್ಲ ಆವರಿಸಿಕೊಂಡಿದೆ. ತಮಗೆ ಪಾಠ ಹೇಳಿದ ಗುರುಗಳ ವೈಯಕ್ತಿಕ ಬದುಕಿನಲ್ಲಿದ್ದ ಸನಾತನವಾದ ಮತ್ತು ತರಗತಿಗಳಲ್ಲಿ ಕನ್ನಡ ಬಳಸದ ಅವರ ಇಂಗ್ಲಿಷಿನ ವ್ಯಾಮೋಹ ಕುರಿತಂತೆ, ಅವರಲ್ಲಿ ಸ್ವಾರಸ್ಯಕರ ಮಾಹಿತಿಗಳಿವೆ. ಪ್ರಭಾಕರ ಅವರು ಆಪ್ತರ ಎದುರು ತಾವು ಬರೆದಿರುವ ಅಪ್ರಕಟಿತ ಪೋಲಿ ಪದ್ಯಗಳನ್ನು ವಾಚಿಸುವುದುಂಟು. ಬಹುಶಃ ಇದು ಅವರ ಗೆಳೆಯರಾಗಿದ್ದ ಎಚ್.ಎಸ್. ಬಿಳಿಗಿರಿಯವರ ಸಹವಾಸ ಫಲವಿರಬೇಕು.

ಒಂದೇ ವ್ಯಕ್ತಿತ್ವದಲ್ಲಿ ಒಟ್ಟಿಗೇ ಇರಲು ಕಷ್ಟವೆನಿಸಬಹುದಾದ ಇನ್ನೂ ಅನೇಕ ಸಂಗತಿಗಳು ಅವರಲ್ಲಿ ಸಹಜವಾಗಿ ನಿರಾಳವಾಗಿ ಇವೆ. ಉದಾ.ಗೆ, ಬಹುಭಾಷಿಕರಾದ ಅವರ ಮನೆಮಾತು ತಮಿಳುಗನ್ನಡ; ಬರವಣಿಗೆ ಕನ್ನಡ ಮತ್ತು ಇಂಗ್ಲೀಶಿನಲ್ಲಿ; ಸಂಸ್ಕೃತ ಅಸ್ಸಾಮಿ ಬಂಗಾಳಿ ಭಾಷೆಗಳಲ್ಲಿ ದೊಡ್ಡ ವಿದ್ವತ್ತು. (ಅವರ ಅಸ್ಸಾಮಿ ಬಂಗಾಳಿ ತಿಳಿವಳಿಕೆಯಿಂದ ಕನ್ನಡಕ್ಕೆ ಪ್ರಯೋಜನವಿನ್ನೂ ಆಗಿಲ್ಲ). ಪಂಪ ಅವರ ಇಷ್ಟದ ಕವಿ. ಮೂಲತಃ ಇಂಗ್ಲೀಶ್ ಸಾಹಿತ್ಯದ ವಿದ್ಯಾರ್ಥಿಯಾದರೂ ಸಾಹಿತ್ಯಕ್ಕಿಂತ ಹೆಚ್ಚಾಗಿ ಅಂತರಾಷ್ಟ್ರೀಯ ರಾಷ್ಟ್ರೀಯ ರಾಜಕಾರಣದ ಮೇಲೆ ಹೆಚ್ಚು ಬರೆವಣಿಗೆ. ಅದರಲ್ಲೂ ಈಶಾನ್ಯ ಭಾರತದ ರಾಜಕಾರಣ ಭಾಷೆ ಧರ್ಮ ಸಂಸ್ಕೃತಿ ಕುರಿತ ಅವರ ತಿಳಿವಳಿಕೆ ಅಪರೂಪದ್ದು. ಇವನ್ನೆಲ್ಲ ಒಟ್ಟಿಗೆ ಹೇಗೆ ಕಲ್ಪಿಸಿಕೊಳ್ಳುವುದು? ಪ್ರಭಾಕರ ತಮ್ಮ ಕಾದಂಬರಿಯ ಒಂದು ಪಾತ್ರದ ಹಾಗೇ ಬದುಕಿದ್ದಾರೆ.

ಅವರು ಈಚೆಗೆ ಮಾತಾಡುತ್ತ ಕೊಂಚ ದಣಿದ ದನಿಯಲ್ಲಿ “ಸ್ವಾಮಿ, ಕರ್ನಾಟಕ ನನಗೆ ಸಾಕಾಗಿದೆ. ಗೌಹಾಟಿಗೆ ಹೋಗಬೇಕು ಅನಿಸುತ್ತಿದೆ’ ಎಂದು ಗೊಣಗಿದರು. “ಹೋಗಿ. ಆದರೆ ಮತ್ತೆಬನ್ನಿ’’ ಎಂದೆ. ಅವರಲ್ಲಿ ಕೋಲಾರ-ಗೌಹಾತಿಗಳ ನಡುವೆ ವಿಚಿತ್ರವಾದ ಆಕರ್ಷಣೆ ವಿಕರ್ಷಣೆಯಿದೆ. ಇದು ಬಹುಕಾಲ ಬೇರೆಡೆ ಬೆಳೆದ ಮರ ತನ್ನ ಮೂಲನೆಲಕ್ಕೆ ಬಂದು ನಾಟಿಗೊಂಡರೆ ಬೇರೂರುವ ಕಷ್ಟ. ಮರಳಿ ಹುಟ್ಟಿದೂರಿಗೆ ಬರುವಿಕೆ ಬಾಲ್ಯದ ನೆನಪುಗಳನ್ನು ಎಚ್ಚರಿಸಿ ಸುಖ ಕೊಡುತ್ತದೆ; ಆದರೆ ಹೊಚ್ಚ ಹೊಸತೆೆನಿಸುವಷ್ಟು ಬದಲಾಗಿರುವ ಪರಿಸರವು, ಕಾಡುವ ಏಕಾಂಗಿತನವನ್ನೂ ತಂದಿಡುತ್ತದೆ. ಯಾರ ಮರುಕವನ್ನೂ ಬಯಸದೆ ಏಕಾಂತದಲ್ಲಿ ಘನತೆಯಿಂದ ಕೊನೆಯ ದಿನಗಳನ್ನು ಕಳೆಯ ಬಯಸುವ ಇಂತಹ ಹಠಮಾರಿ ಜೀವಗಳು, ಒಳಗೇ ಮೃದ್ವಂಗಿಗಳಾಗಿ ಆಪ್ತಸಂಗಾತಕ್ಕೆ ಹಾತೊರೆಯುತ್ತಿರುತ್ತವೆ.

ಆ ಸಂಗಾತದ ಸ್ವರೂಪ ಎಂತಹುದು ಎಂದು ಸ್ಪಷ್ಟವಾಗುವುದಿಲ್ಲ. ನಾನು ‘ಕಾಮರೂಪಕ್ಕೆ ಯಾವಾಗ ಹೋಗುತ್ತೀರಿ’ ಎಂದು ಕೇಳಿದೆ: ‘ಆದಿಮದ 50ನೇ ಬೆಳುದಿಂಗಳ ಕಾರ್ಯಕ್ರಮ ಮುಗಿಸಿಕೊಂಡು’ ಎಂದರು.
ಪ್ರತಿಯೊಬ್ಬರಿಗೂ ಬಾಳಿನಲ್ಲಿ ಬಹುರೂಪಧಾರಣೆ ಮಾಡಬೇಕಾದ ಒತ್ತಡಗಳು ಎದುರಾಗಬಹುದು. ಆದರೆ ಈ ರೂಪಧಾರಣೆಗೆ ಕಾರಣ, ನಮ್ಮ ಇಚ್ಛಾನಿಚ್ಛೆಗಳು ಮಾತ್ರವಲ್ಲ, ಬಾಳಿನ ಅನೂಹ್ಯ ಒತ್ತಡಗಳು ಸಹ. ಈ ಒತ್ತಡಗಳು ಬರೆಹ ಇಲ್ಲವೇ ಮಾತಿನ ವ್ಯಾಖ್ಯಾನಕ್ಕೆ ಕೆಲವೊಮ್ಮೆ ನಿಲುಕುವಂತೆ ಇರುವುದಿಲ್ಲ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending