ಅಂತರಂಗ
ಅರಿಮೆಯ ಅರಿವಿರಲಿ-11: ಆತ್ಮವೈಭವ
- ಯೋಗೇಶ್ ಮಾಸ್ಟರ್
ಆತ್ಮರತಿ ಅಥವಾ Narcissistic Personality ಒಮ್ಮೆ ಹೊಕ್ಕಿಕೊಂಡಿತೆಂದರೆ ಅದರಿಂದ ಬಿಡುಗಡೆ ಇಲ್ಲ ಅಂತೇನಿಲ್ಲ. ಇದು ಅನುವಂಶೀಯವಾದ ಸಮಸ್ಯೆಯೇನಲ್ಲ. ಜೊತೆಗೆ ಇದು ಸಾಂಕ್ರಾಮಿಕವೂ ಅಲ್ಲ. ಮನೋರೋಗಗಳಲ್ಲಿ ಕೆಲವು ಸಾಂಕ್ರಾಮಿಕವಾಗುವುದಿವೆ. ಒಬ್ಬರ ವರ್ತನೆ ಮತ್ತು ನಡವಳಿಕೆ ಅಥವಾ ಬಲವಾದ ಪ್ರಭಾವಗಳು ಇನ್ನೊಬ್ಬರಿಗೂ ಅಂತಹ ವರ್ತನೆಯನ್ನು ಪ್ರೇರೇಪಿಸುವಂತಹ ಸೋಂಕು ಇರುತ್ತದೆ. ಒಬ್ಬ ದುರ್ಬಲ ಮನಸ್ಕನು ತನಗಾಗಿರುವ ಭಯ ಅಥವಾ ಇನ್ನಿತರ ನಕಾರಾತ್ಮಕ ಭಾವವನ್ನು ಪದೇಪದೇ ವ್ಯಕ್ತಪಡಿಸುತ್ತಾ ಇನ್ನೊಬ್ಬ ದುರ್ಬಲ ಮನಸ್ಕನಿಗೆ ಅದನ್ನು ಸೋಂಕಿಸಬಹುದು.
ಇದು ಆ ಬಗೆಯದೂ ಅಲ್ಲ. ನಿಜ ಹೇಳಬೇಕೆಂದರೆ ನಾರ್ಸಿಸಂ ಅಥವಾ ಆತ್ಮರತಿಯರಿಮೆ ಎಲ್ಲರಲ್ಲೂ ಇದ್ದೇ ಇರುತ್ತದೆ. ಆದರೆ ಅದು ಎಷ್ಟಿರಬೇಕೋ ಅಷ್ಟೇ ಇದ್ದರೆ ಆರೋಗ್ಯಕರ ಮನಸ್ಥಿತಿ ಎಂದೂ, ಮಿತಿಮೀರಿದರೆ ಅನಾರೋಗ್ಯಕರ ಮನಸ್ಥಿತಿ ಎಂದೂ ತಿಳಿಯಬೇಕು. ಒಬ್ಬ ವ್ಯಕ್ತಿಯ ಸಾಧಾರಣ ಬೆಳವಣಿಗೆಗೆ ಆತ್ಮರತಿಯೆಂಬುದು ಬಹಳ ಸಾಮಾನ್ಯವೂ, ಕೆಲವೊಮ್ಮೆ ಅಗತ್ಯವೂ ಆಗಿರುತ್ತದೆ, ಹಸ್ತಮೈಥುನದಂತೆ.
ಸಿಗ್ಮಂಡ್ ಫ್ರಾಯ್ಡ್ ಆತ್ಮರತಿಗೆ ಕೊಡುವ ಒಂದು ಸಾಧಾರಣ ಉದಾಹರಣೆ ಏನೆಂದರೆ, “ಗಂಡ ಹೆಂಡತಿ ಮಗುವನ್ನು ಹೆರುವುದು,” ತಮ್ಮ ತದ್ರೂಪುಗಳನ್ನು ರೂಪಿಸುವುದು ಅಥವಾ ವಂಶ ಮುಂದುವರಿಸುವುದೂ ಕೂಡಾ ಆತ್ಮರತಿಯೇ. ಇರಬಹುದು. ಅರಿವಿಗೆಟುಕದ ಅನೇಕ ಅರಿಮೆಗಳು ನಮ್ಮಲ್ಲಿ ಅಂತರ್ಗತವಾಗಿರುತ್ತವೆ. ಹಾಗಿರುವಾಗ, ಅಯ್ಯೋ ನನಗೆ ಇಂತದ್ದೊಂದು ಅರಿಮೆ ಇದೆ, ಕಾಂಪ್ಲೆಕ್ಸ್ ಕಾಡುತ್ತಿದೆ ಎಂದು ರೋಗಗ್ರಸ್ತ ಮನೋಭಾವವನ್ನು ಹೊಂದುವ ಬದಲು, ‘ಇದಕ್ಕೆ ಈ ಹೆಸರಿನಿಂದ ಕರೆಯುತ್ತಾರೆ’ ಎಂಬು ತಿಳುವಳಿಕೆಯನ್ನು ಹೊಂದುವುದು ಮತ್ತು ಮಿತಿ ಮೀರಲು ಹಾತೊರೆವ ಅರಿಮೆಯನ್ನು ಅರಿವಿನಿಂದ ಅಂಕೆಯಲ್ಲಿಡುವುದು ಜಾಣನಾದವನ ಲಕ್ಷಣ.
ನಾನು ಸರ್ವಶಕ್ತ ಸರ್ವಾಂತರ್ಯಾಮಿ
ಮನುಷ್ಯನಿಗೆ ಮಗುವಾಗಿರುವಾಗಲೇ ತನ್ನ ದೃಷ್ಟಿಯ ಮಿತಿಯಲ್ಲಿರುವ ಇಲ್ಲದಿರುವ ಬೇಕಿರುವ ಬೇಡದಿರುವ ಎಲ್ಲದರ ಮೇಲೆ ತನ್ನ ಒಡೆತನ ಅಥವಾ ಯಜಮಾನಿಕೆ ಅಥವಾ ಅಧಿಕಾರ ಇರಬೇಕೆಂದೂ ಆಸೆ ಇರುತ್ತದೆ.ತಾನೊಬ್ಬ ಸರ್ವಶಕ್ತ ಮತ್ತು ಸರ್ವಾಂತರ್ಯಾಮಿಯಾಗಿರಬೇಕೆಂಬ ಆತ್ಮವೈಭವದ ಪರಿಕಲ್ಪನೆ ಇರುತ್ತದೆ. ಮಗುವಿಗೆ ಆಲೋಚನೆಗಳು ಮೂಡತೊಡಗುವ ವಯಸ್ಸಿನಲ್ಲಿಯೇ, ತನ್ನ ಸುತ್ತಲ ವಿಷಯವಸ್ತುಗಳನ್ನು ಗುರುತಿಸುವಷ್ಟಾಗುತ್ತಿದ್ದಂತೆ, ಅದರಲ್ಲಿಯೂ ತನಗೆ ಯಾವುದರಿಂದ ಆನಂದ ಮತ್ತು ಸುಖ ಸಿಗುತ್ತದೆ ಎಂಬ ಅರಿವಾಗುತ್ತಿದ್ದಂತೆಯೇ ಮನಸ್ಸಿನಲ್ಲಿ ಕನಸುಗಳು ಗರಿಗೆದರತೊಡಗುತ್ತದೆ.
ಅವರ ಏಕಾಂತಗಳಲ್ಲಿ, ಒಬ್ಬರೇ ಆಡಿಕೊಳ್ಳುವ, ತಮ್ಮೊಂದಿಗೆ ತಾವೇ ಇರುವಂತಹ ಎಲ್ಲಾ ಅವಕಾಶಗಳಲ್ಲಿ ಅವರು ಕನವರಿಸುವುದು ತಮ್ಮ ಆತ್ಮವೈಭವವನ್ನೇ. ಇದನ್ನು ಮನಶಾಸ್ತ್ರದಲ್ಲಿ ಮೆಗಲೋಮೇನಿಯಾಕ್ ಆಮ್ನಿಪೇಟೆನ್ಸ್ ಆಲೋಚನೆಗಳು ಎನ್ನುತ್ತಾರೆ. ಸಾಲದಕ್ಕೆ ಕೆಲವು ಪೋಷಕರು, ಕೆಲವು ಶಿಕ್ಷಕರು, ಮಗುವನ್ನು ಪ್ರೀತಿಸುವವರು ಈ ಆಲೋಚನೆಗಳಿಗೆ, ಅವರು ಕನವರಿಸುವ ಕನಸುಗಳಿಗೆ ಕಸುವು ನೀಡುವಂತೆ ಪ್ರೇರಣೆಗಳನ್ನು ನೀಡುತ್ತಾರೆ.
ಪ್ರೋತ್ಸಾಹಿಸುತ್ತಾರೆ. ಕೆಲವು ಪೋಷಕರಂತೂ ತಾವೆಂದಿಗೂ ಸೇರಲಾಗದ ಗುರಿಯ ದಾರಿಯನ್ನು ಅವರ ಕಡೆಗೆ ತಿರುಗಿಸಿಬಿಡುತ್ತಾರೆ. ಮಕ್ಕಳಲ್ಲಿ ಅರಿಮೆಗಳನ್ನು ಬಲಗೊಳಿಸುವುದು ಸಾಮಾನ್ಯವಾಗಿ ಕುಟುಂಬವೇ. ಮಕ್ಕಳಲ್ಲಿರುವ ಮೌಲ್ಯವನ್ನು ಅಗತ್ಯಕ್ಕಿಂತ ಹೆಚ್ಚಾಗಿ ಅತ್ಯುತ್ಪ್ರೇಕ್ಷೆಯಿಂದ ವರ್ಣಿಸುವುದು. ಹೊಗಳುವುದು. ನಮ್ಮ ಮಗು ಬಿಟ್ಟಾರೆ ಈ ಜಗತ್ತಿನಲ್ಲಿ ಇಂತಹ ಮಕ್ಕಳೇ ಇಲ್ಲ ಎನ್ನುವಂತೆ ಕೊಂಡಾಡುವುದು; ಇವೆಲ್ಲಾ ಸಹಜವಾಗಿಯೇ ಮಕ್ಕಳಲ್ಲಿ ಇರುವ ಆತ್ಮವೈಭವವನ್ನು ಆತ್ಮರತಿಯ ಸಮಸ್ಯೆಯನ್ನಾಗಿ ಪರಿವರ್ತಿಸುತ್ತದೆ. ಒಂದು ವೇಳೆ ಪೋಷಕರು ಅಥವಾ ಮನೆಯವರು ಅಥವಾ ಸಾಮಾಜಿಕ ಪರಿಸರದಲ್ಲಿರುವವರು ಮಗುವಿಗೆ ಉಬ್ಬಿಸುವ ಬದಲು ಕುಗ್ಗಿಸಿದರೆ, ಮಕ್ಕಳು ಕೀಳರಿಮೆಯಲ್ಲಿ ಬಳಲುತ್ತಾರೆ.
ವಿರೂಪದರಿಮೆ
ಆತ್ಮರತಿಗೆ ವಿರುದ್ಧವಾದಂತಹ ಇನ್ನೊಂದು ಸಮಸ್ಯೆ ಇದೆ, ಅದು ವಿರೂಪದರಿಮೆಯ ಸಮಸ್ಯೆ Body dysmorphic disorder (BDD. ಇವರ ಸಮಸ್ಯೆ ಏನೆಂದರೆ, ತಮ್ಮ ಮುಖದಲ್ಲಿ, ದೇಹದಲ್ಲಿ, ನಡೆಯಲ್ಲಿ, ನಿಲುವಲ್ಲಿ, ಭಂಗಿಯಲ್ಲಿ; ಎಲ್ಲದರಲ್ಲೂ ಏನೋ ಒಂದು ಸಮಸ್ಯೆ ಇದೆ ಎಂದು ಕೊರಗುತ್ತಿರುತ್ತಾರೆ. ತಾನು ಚೆನ್ನಾಗಿಲ್ಲ. ಇತರರು ಇದ್ದಂತೆ ತಾನು ಸುರೂಪವಾಗಿಲ್ಲ. ನನ್ನ ಮೂಗು ವಕ್ರ, ಕೆನ್ನೆ ಚಪ್ಪೆ, ಮೂತಿ ಉದ್ದ, ಹಲ್ಲು ವಕ್ರ, ಮುಖದಲ್ಲಿ ಲಕ್ಷಣವಿಲ್ಲ; ಹೀಗೆ, ಒಂದಲ್ಲಾ ಒಂದು ವಿರೂಪವನ್ನು ತಮ್ಮಲ್ಲಿ ಗುರುತಿಸಿಕೊಂಡು ಕೀಳರಿಮೆಯಲ್ಲಿ ಬಳಲುತ್ತಿರುತ್ತಾರೆ. ತಾವು ಕಪ್ಪು ಎಂಬ ಅರಿಮೆ, ತಲೆಯಲ್ಲಿ ಕೂದಲಿಲ್ಲ ಎಂಬ ಕೊರಗು; ತಾನು ಸಣ್ಣಗಿದ್ದೇನೆ ಅಥವಾ ದಪ್ಪಗಿದ್ದೇನೆ; ಯಾವುದಾದರೂ ಅವರ ತಲೆಯಲ್ಲಿ ಕೂತಿರುತ್ತದೆ. ಹಲ್ಲು ಉಬ್ಬಿದೆ ಎಂದು ಮನಸೋಯಿಚ್ಚೆ ನಗಲಾರರು. ಹಲ್ಲು ಕಂಡವರು ಆಡಿಕೊಳ್ಳುತ್ತಾರೆ, ಅಪಹಾಸ್ಯ ಮಾಡುತ್ತಾರೆ ಎಂಬ ಹಿಂಜರಿಕೆ ಅವರಿಗೆ.
ಸಾಲದಕ್ಕೆ ನಮ್ಮ ಸಮಾಜವೂ ಸೌಂದರ್ಯವೆಂದರೆ ಹೀಗೆ ಎಂಬ ಮಾನದಂಡಗಳನ್ನು ಬೇರೆ ಇಟ್ಟಿದೆಯಲ್ಲಾ. ಹುಡುಗಿ ಎಂದರೆ ತೆಳ್ಳಗೆ, ಬೆಳ್ಳಗೆ ಇರಬೇಕು. “ಕಣ್ಣೆರಡು ಕಮಲಗಳಂತೆ, ಮುಂಗುರುಳು ದುಂಬಿಗಳಂತೆ, ನಾಸಿಕವು ಸಂಪಿಗೆಯಂತೆ, ನೀ ನಗಲು ಹೂಬಿರಿದಂತೆ,” ಎಂದು ಸೌಂದರ್ಯಕ್ಕೊಂದು ಮಾನದಂಡವಿಟ್ಟು, ಆ ಸುರೂಪದ ಮಾನದಂಡದ ವ್ಯಾಪ್ತಿಯಲ್ಲಿ ಬರದೇ ಇರುವವರು ತಮ್ಮನ್ನು ಕುರೂಪವೆಂದೋ, ವಿರೂಪವೆಂದೋ ಅಂದುಕೊಳ್ಳಬೇಕು ತಾನೆ? ಕತೆ, ಕಾವ್ಯ ಮತ್ತು ಕಾದಂಬರಿಗಳಂತಹ ಸಾಹಿತ್ಯ, ಸಂಗೀತ, ಸಿನಿಮಾಗಳು ಸಾಕಷ್ಟು ಪ್ರಮಾಣದಲ್ಲಿ ಅರಿಮೆಗಳನ್ನು ಗಟ್ಟಿಗೊಳಿಸುವ ಕಾಣ್ಕೆಗಳನ್ನು ನೀಡುತ್ತವೆ.
ಸುಮ್ಮನೆ ಆಗಲೋ ಈಗಲೋ ಗಮನಿಸಿ, ಬೆಳ್ಳಗಿದ್ದಾನೆಂದೋ, ದಷ್ಟಪುಷ್ಟವಾಗಿದ್ದಾನೆಂದೋ, ಎತ್ತರಕ್ಕಿದ್ದಾನೆಂದೋ, ಅಥವಾ ಇವೆಲ್ಲವೂ ಇದೆಯೆಂದೋ ಆತನಿಗೆ “ನೀನು ಹೀರೋ, ಒಳ್ಳೆ ಹೀರೋ ಇದ್ದಂಗಿದ್ದೀಯ. ಯಾಕೆ ಸಿನಿಮಾಗೆ ಪ್ರಯತ್ನ ಮಾಡಬಾರದು” ಎಂದೇ ಹೇಳುತ್ತಾರೆ.
ಅವರೇನೂ ಸುಮ್ಮನೆ ಹೇಳುತ್ತಿಲ್ಲ. ಅವರಲ್ಲಿ ಒಂದು ಸ್ವಂತ ಆಲೋಚನೆಯೊಂದು ಹುಟ್ಟಿ ಅದಕ್ಕೆ ಸರಿಯಾಗಿ ಅವರು ಮಾತಾಡುತ್ತಿಲ್ಲ. ಸಾಮಾನ್ಯವಾಗಿ ಸಮಾಜದಲ್ಲಿ ಚಾಲ್ತಿಯಲ್ಲಿರುವ ಅಭಿಪ್ರಾಯವನ್ನು ತಮ್ಮದಾಗಿಸಿಕೊಂಡು ಅಭಿವ್ಯಕ್ತಪಡಿಸುತ್ತಿರುತ್ತಾರೆ.
ಅರಿಮೆಗಳ ಬಂಡವಾಳ ಮತ್ತು ವ್ಯಾಪಾರ
ಈ ಅರಿಮೆಗಳು ಎಷ್ಟೋ ಜನಕ್ಕೆ ಬಂಡವಾಳ. ಫೇರ್ ಆಗಿ, ಲವ್ಲೀ ಆಗಿ ಕಾಣಿರಿ ಎಂದು ಫೇರ್ನೆಸ್ ಕ್ರೀಂಗೆ ಬಂಡವಾಳ ಹಾಕಿದವರಿಗೆ ಲಾಭವಾಗುತ್ತಿರುವುದು ಯಾವ ಅರಿಮೆಯಿಂದ? ನಾವು ಧಾರ್ಮಿಕ ಮೌಢ್ಯಗಳನ್ನು ಧಿಕ್ಕರಿಸುತ್ತಾ ಬಂಡವಾಳದಾರರು ಪೋಷಿಸುವ ಮೌಢ್ಯಗಳನ್ನು ಗಮನಿಸುವಲ್ಲಿ ಹಿಂದುಳಿದುಬಿಡುತ್ತೇವೆ. ಹದಿನೈದು ದಿನಗಳ ಮುಖದ ಕಾಂತಿ ಇಂತಿರುವುದು ಅಂತಾಗಿಬಿಡುತ್ತದೆ ಎಂಬ ಬಣ್ಣದ ಮಾಪನದ ಪಟ್ಟಿಯನ್ನು ಹೊಂದಿರುವ ಮುಖಕಾಂತಿಯ ಕ್ರೀಮನ್ನು ವರ್ಷಾನು ವರ್ಷಗಟ್ಟಲೆ ಬಳಸುತ್ತಲೇ ಇದ್ದರೂ ‘ಈ ಕ್ರೀಮಿನವರು ಸುಳ್ಳುಗಾರ. ಈ ಕ್ರಿಮಿಂದ ನನಗೆ ಯಾವ ಮುಖಕಾಂತಿಯೂ ಬಂದಿಲ್ಲ’ ಎಂದು ಧಿಕ್ಕರಿಸದೇ ಇರುವಷ್ಟು ಕ್ರೀಮಿನ ವ್ಯಸನವು ಅಂಟಿರುತ್ತದೆ.
ಬಂಡವಾಳದಾರನಿಗೆ ನಾವು ವ್ಯಸನಕ್ಕಂಟುವುದೇ ಬೇಕಾಗಿರುವುದು. ಇಂದು ಸಮಸ್ಯೆ ಇದೆ ಎಂದು ಕೊಂಡು ನಾಳೆ ವಾಸಿಯಾದ ಮೇಲೆ ಬೇಡದೇ ಸುಮ್ಮನಾಗಿಬಿಡುವಂತಹ ಯಾವುದೋ ರೋಗದ ಔಷಧಿಯಲ್ಲ ಇದು. ಅರಿಮೆಯ ವ್ಯಸನ ಹೋಗದು, ಪರಿಹಾರ ಲಭಿಸದು ಎಂಬ ನಂಬಿಕೆ ಅವರದು.
ಬಂಡವಾಳದಾರರು ಅದೆಷ್ಟು ಅರಿಮೆಯನ್ನು ಗಟ್ಟಿಗೊಳಿಸುತ್ತಾರೆಂದರೆ, ನೀವು ಹಾಡುವ ಸಾಮರ್ಥ್ಯಕ್ಕೂ, ಅದಕ್ಕೆ ಬೇಕಾದ ಆತ್ಮವಿಶ್ವಾಸಕ್ಕೂ ನಿಮ್ಮ ಕಪ್ಪುತ್ವಚೆಯನ್ನು ತಗುಲಿಹಾಕುತ್ತಾರೆ. ಗೌರವವರ್ಣಕ್ಕೆ ನೀವು ತಿರುಗಿದ ಮೇಲೆ ಆತ್ಮವಿಶ್ವಾಸದಿಂದ ಹಾಡುತ್ತೀರಿ ಎನ್ನುತ್ತಾರೆ. ಅದನ್ನು ಒಪ್ಪಿ ಆ ವಸ್ತುಗಳನ್ನು ಕೊಳ್ಳುತ್ತಾರೆ. ಸಣ್ಣಗಿರುವವರಿಗೆ ದಪ್ಪಗಾಗಲು, ದಪ್ಪಗಿರುವವರಿಗೆ ಸಣ್ಣಗಾಗಲು, ಕುಳ್ಳಗಿರುವವರಿಗೆ ಉದ್ದವಾಗಲು, ತಲೆಯಲ್ಲಿ ಕಡಿಮೆ ಕೂದಲಿರುವವರಿಗೆ ಉದ್ದ ಕೂದಲು ಬರಲು; ಅಷ್ಟೇಕೆ ಮೊಲೆಗಳ ಗಾತ್ರವನ್ನು ಹೆಚ್ಚಿಸಲು, ನಿಮ್ಮ ಶಿಶ್ನವು ಚಿಕ್ಕದಾಗಿದ್ದರೆ ಅದನ್ನು ಉದ್ದ ಮಾಡಲು. ನಿಮ್ಮ ಸಂಭೋಗದ ಸಮಯವನ್ನು ರಾತ್ರಿಯಿಡೀ ಹಿಗ್ಗಿಸಲು; ಹೀಗೆ ಅರಿಮೆಗಳು ವ್ಯಾಪಾರಕ್ಕೆ ಬಂಡವಾಳಗಳೂ ಕೂಡಾ.
ಮೊಲೆಗಳು ಚಿಕ್ಕದಿರಲಿ, ದೊಡ್ಡದಿರಲಿ, ಅವುಗಳು ಆರೋಗ್ಯವಾಗಿದ್ದರೆ ಸಾಲದೇ? ಶಿಶ್ನವು ಉದ್ದಕ್ಕಿರಲಿ, ಸಣ್ಣಕ್ಕಿರಲಿ; ಆರೋಗ್ಯವಾಗಿ ಅದು ಮಾಡುವ ಕೆಲಸ ಮಾಡಿದರಾಗದೇ? ಹೋಗಲಿ ಅದು ಅತ್ಯಂತ ಆಕರ್ಷಕವಾಗಿದ್ದರೂ, ಇಲ್ಲದಿದ್ದರೂ ಏನು? ಅದೇನು ಮುಖದಲ್ಲಿ ಮೂಗಿರುವ ಜಾಗದಲ್ಲಿದೆಯೇ ವಡವೆಯೊಂದರಿಂದ ಅಲಂಕರಿಸಿಕೊಂಡು ಮೆರವಣಿಗೆ ಹೋಗಲು? ಆದರೆ ಅರಿಮೆಯ ಪ್ರಭಾವವೇ ಅಂತಹದ್ದು. ಆತ್ಮರತಿಯೇ ಮೊದಲಾದ ಅರಿಮೆ ಎಂಬುದು ಮನುಷ್ಯನ ಪ್ರದರ್ಶನದ ಆಯಾಮಗಳಲ್ಲಿ ಮಾತ್ರವಲ್ಲ ಗುಪ್ತನೆಲೆಗಳಲ್ಲಿ, ಒಳಗಿನ ನೆರಳುಗಳಲ್ಲೂ ಒಳಗೊಳಗೇ ಕಾಡುತ್ತಿರುತ್ತವೆ.
ಶಿಶ್ನದ ಗಾತ್ರವೇ ಮೊದಲಾದ ಲೈಂಗಿಕತೆಯ ಕೀಳರಿಮೆಗಳಿಂದ ಬಹಳಲುವ ಜನರ ಅದೆಷ್ಟು ಸಾಮರ್ಥ್ಯ ಮತ್ತು ಪ್ರತಿಭೆಗಳು ಹಾಗೆಯೇ ಸೊರಗಿ ಹೋಗಿವೆಯೋ ಕಂಡವರಾರು? ಲೆಕ್ಕವಿಟ್ಟವರಾರು? ಮೊದಲು ಇವನ್ನು ರೂಪಿಸಿದವರು ಯಾರು? ಯಾರಾದರಾಗಲಿ, ಹೇಗಾದರಾಗಲಿ; ಇಂತಹ ಸೋಂಕುಗಳಿಂದ ನಾವು ನಮ್ಮನ್ನೂ ರಕ್ಷಿಸಿಕೊಳ್ಳಬೇಕು, ಸಮಾಜವನ್ನೂ ರಕ್ಷಿಸಬೇಕು. ಖಂಡಿತವಾಗಿ ಅದು ಪ್ರಾರಂಭವಾಗಬೇಕಾಗಿರುವುದು ‘ನನ್ನಿಂದಲೇ’.
ಅಭಿಪ್ರಾಯಗಳೂ ಕೂಡಾ ಸೋಂಕುಗಳಂತೆ ವರ್ತಿಸುತ್ತಾ ಅರಿಮೆಗಳಿಗೆ ಕಾರಣವಾಗುತ್ತದೆ.
ವಿರೂಪದ ಅರಿಮೆಯು ತನ್ನ ಮೌಲ್ಯವನ್ನು ತಾನೇ ಗ್ರಹಿಸುವುದಕ್ಕೆ ಬಿಡುವುದಿಲ್ಲ. ತನಗಿರುವ ಸಾಮರ್ಥ್ಯದ ಸಾಧ್ಯತೆಗಳನ್ನು ಹುಡುಕಿಕೊಳ್ಳಲು ಬಿಡುವುದಿಲ್ಲ. ನನ್ನಂತವರಿಗೆ ಯಾರು ಹೆಣ್ಣು ಕೊಡ್ತಾರೆ? ನನ್ನ ಮುಖಕ್ಕೆ ಯಾರು ಕೆಲಸ ಕೊಡ್ತಾರೆ? ನನ್ನ ಯಾರೂ ಮೂಸುವವರಿಲ್ಲ? ಇವುಗಳ ಅವರ ಸಾಧಾರಣ ಮಾತುಗಳು.
ಮಹಾತ್ಮನ ಆತ್ಮ
ನಾನು ಅಂದರೆ ಯಾರು? ನಾನು ಮನಸ್ಸು ಮಾಡಿದರೆ ಏನು ಬೇಕಾದರೂ ಮಾಡ್ತೇನೆ. ನನ್ನ ಮಾತೇ ನಡೆಯಬೇಕು ಎಂಬ ಅಹಂಕಾರದ ಆತ್ಮರತಿಯಂತೆ, ಇನ್ನೊಂದು ವಿನಯಶೀಲ, ಮಾನವೀಯ ಆತ್ಮರತಿಯೂ ಕೂಡಾ ಅಸ್ತಿತ್ವದಲ್ಲಿದೆ. ನಾನಲ್ಲದೇ ಇನ್ಯಾರು ನೋಡಬೇಕು? ನಾವೇ ಕಾಪಾಡಬೇಕು. ಅವರು ಏನೇ ಹೇಳಲಿ, ನಾನು ಸಮಾಧಾನವಾಗಿದ್ದು ಸನ್ನಿವೇಶವನ್ನು ನಿಯಂತ್ರಿಸಬೇಕು. ಅವನಿಗೆ ಗೊತ್ತಾಗಲ್ಲ ಅಂದರೆ ನನಗೆ ಗೊತ್ತಾಗಲ್ವಾ? ಇದೂ ಕೂಡಾ ಆತ್ಮರತಿಯೇ.
ಆದರೆ ಆಗ್ರಹಪೂರ್ವಕವಾಗಿರುವುದಿಲ್ಲ. ಆವೇಶಭರಿತವಾಗಿರುವುದಿಲ್ಲ. ಈ ಬಗೆಯ ಮೃದುವಾದ ಮತ್ತು ವಿನಯಶೀಲವಾದ ಆತ್ಮರತಿಯ ಮದನರು ಮಹಾತ್ಮರಾಗುತ್ತಾರೆ. ಜನರೂ ಮತ್ತು ಸಮಾಜವೂ ಅವರು ಪ್ರದರ್ಶಿಸುತ್ತಿರುವ ಪ್ರೇಮ, ಪ್ರೀತಿ, ಕಳಕಳಿ ಮತ್ತು ಸೇವೆಗಳನ್ನು ನೋಡುತ್ತಾ, ಅದರಲ್ಲೂ ತಾವು ಹಿಂಜರಿಯುವ ಕ್ಷೇತ್ರಗಳಲ್ಲಿ ಅಸಹ್ಯ ಪಡದೇ, ಧೈರ್ಯವಾಗಿ ಸೇವೆಗಳನ್ನು ಮಾಡುವ ಈ ಮೃದು ಆತ್ಮರತಿಯವರು ಸ್ತುತಿಗೆ ಅರ್ಹವಾಗುತ್ತಾರೆ.
ಪರೋಪಕಾರಾರ್ಥೇಮಿದಂ ಶರೀರಂ ಎಂದು ನಸುನಗುತ್ತಾ ಅವರಿವರಿಗೆ ಸೇವೆ ಸಲ್ಲಿಸುತ್ತಾ, ಬಡವರನ್ನು ಹುಡುಕಿ, ಅನಾಥಾಲಯಗಳನ್ನು ಹೊಕ್ಕು ತಮ್ಮ ಆ ಒಂದು ದಿನದ ಸೇವೆಯನ್ನು ಶಾಶ್ವತ ಫೋಟೋ ಫ್ರೇಮಿನಲ್ಲಿ ಬಂಧಿಸಿ, ಫೇಸ್ಬುಕ್ ವಾಟ್ಸಪ್ಪುಗಳಲ್ಲಿ ಪ್ರಚಾರಪಡಿಸುವ ಆತ್ಮರತಿಯೂ ಕೂಡಾ ನಾರ್ಸಿಸಮ್ ಅರಿಮೆಯ ಭಾಗವೇ.
ಈ ವಿವಿಧ ಬಗೆಯ ಆತ್ಮರತಿಗಳನ್ನು, ಅಹಂಕಾರಗಳನ್ನು, ಆತ್ಮಕೇಂದ್ರಿತ ಆಲೋಚನೆಗಳನ್ನು ತಿಳಿದುಕೊಂಡರೆ ಒಬ್ಬ ಯಾವುದರಲ್ಲೇ ಬಂಧಿತನಾಗಿದ್ದರೆ ಅದರಿಂದ ಮುಕ್ತನಾಗಬಹುದು. ತಿಳಿದುಕೊಳ್ಳೋಣ ಮುಂದೆ.
(ಮುಂದುವರಿಯುವುದು)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ
250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು
ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ
ಬೆಂಗಳೂರು: ಮಧ್ಯಪ್ರದೇಶ ರಾಜ್ಯದ ಖಾರ್ಗೋನ್ ಜಿಲ್ಲೆಯಲ್ಲಿರುವ ನರ್ಮದಾ ನದಿ ತೀರದಲ್ಲಿ 250ಕ್ಕೂ ಹೆಚ್ಚು ಗಿಳಿಗಳು ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ ಸಾವನ್ನಪ್ಪಿರುವ ಪ್ರಕರಣ ಇಡೀ ದೇಶದಲ್ಲಿ ಇದೇ ಮೊದಲ ಬಾರಿಗೆ ನಡೆದ ದುರ್ಘಟನೆ ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ ಆತಂಕ ವ್ಯಕ್ತಪಡಿಸಿದ್ದಾರೆ.
ಕಳೆದ ಮೂರು ದಿನಗಳಲ್ಲಿ ನರ್ಮದಾ ನದಿ ತೀರದಲ್ಲಿ ಸುಮಾರು ಇನ್ನೂರಕ್ಕೂ ಅಧಿಕ ಗಿಳಿಗಳು ನಿಗೂಢವಾಗಿ ಸಾವನ್ನಪ್ಪಿದ್ದು ಆರಂಭದಲ್ಲಿ ಇದು ಹಕ್ಕಿ ಜ್ವರ ದಿಂದ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿತ್ತು ಆದರೆ ಪಶುವೈದ್ಯಕೀಯ ಅಧಿಕಾರಿ ಡಾ. ಸುರೇಶ್ ಬಫೇಲ್ ಅವರು ನೀಡಿದ ಮಾಹಿತಿ ಪ್ರಕಾರ ಹಕ್ಕಿಗಳ ಹೊಟ್ಟೆಯಲ್ಲಿ ಅಕ್ಕಿ ಕಾಳುಗಳು ಮತ್ತು ಸಣ್ಣ ಕಲ್ಲುಗಳು ಪತ್ತೆಯಾಗಿವೆ. ಅಲ್ಲದೆ ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ 200 ರಿಂದ 50 ಕ್ಕೂ ಅಧಿಕ ಮೃತಪಟ್ಟಿರುವ ಸಾಧ್ಯತೆಗಳು ಹೆಚ್ಚಿವೆ ಎಂದು ಹೇಳಿದ್ದು ಇವರ ಮಾಹಿತಿಯನ್ನು ಆದರಿಸಿ ವಿಶೇಷ ತನಿಖೆ ಮಾಡಬೇಕು ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆಗ್ರಹಿಸಿದೆ.
ಖರ್ಗೋನ್ ಜಿಲ್ಲೆಯ ಬದ್ವಾ ಪ್ರದೇಶದ ನರ್ಮದಾ ನದಿ ತೀರದಲ್ಲಿರುವ ಅಕ್ವೆಡಕ್ಟ್ ಸೇತುವೆಯ ಸಮೀಪ ಈ ಘಟನೆ ಬೆಳಕಿಗೆ ಬಂದಿದ್ದು ಅರಣ್ಯ ಇಲಾಖೆಯು ಸೇತುವೆಯ ಸುತ್ತಮುತ್ತ ಹಕ್ಕಿಗಳಿಗೆ ಆಹಾರ ನೀಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ. ಸದ್ಯ ಹಕ್ಕಿಗಳ ಸಾವಿಗೆ ನಿಖರ ಕರಣ ತಿಳಿಯಲು ಹಕ್ಕಿಗಳ ಅವಶೇಷಗಳನ್ನು ಜಬಲ್ಪುರಕ್ಕೆ ಕಳುಹಿಸಲಾಗಿದೆ. ಸದ್ಯ ಅರಣ್ಯ ಇಲಾಖೆ ಮತ್ತು ಪಶುವೈದ್ಯಕೀಯ ತಂಡಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿವೆ.
ಇನ್ನೊಂದು ಮುಖ್ಯ ವಿಚಾರ ಏನೆಂದರೆ ಪಕ್ಷಿಗಳಿಗೆ ಮನುಷ್ಯರು ಸೇವಿಸುವ ಎಣ್ಣೆ ಪದಾರ್ಥ ಅಥವಾ ಬೇಯಿಸಿದ ಆಹಾರ ನೀಡುವುದು ಅವುಗಳ ಜೀರ್ಣಾಂಗ ವ್ಯವಸ್ಥೆಯ ಮೇಲೆ ಮಾರಕ ಪರಿಣಾಮ ಬೀರುತ್ತದೆ ಎಂದು ಪಶುವೈದ್ಯಕೀಯ ಅಧಿಕಾರಿ ಡಾ. ಮನಿಷಾ ಚೌಹಾಣ್ ಹೇಳಿದ್ದಾರೆ. ಏನೇ ಆದರೂ ನೂರಾರು ಗಿಳಿಗಳು ಸಾವನ್ನಪಿರುವುದು ಮಾತ್ರ ದುರಂತ.
ಈ ಸಂದರ್ಭದಲ್ಲಿ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ, ಹಿರಿಯ ಉಪಾಧ್ಯಕ್ಷರಾದ ಗುರುರಾಜ್ ಹೂಗಾರ್, ಉಪಾಧ್ಯಕ್ಷರಾದ ಯೋಗೀಶ್ ಕುಮಾರ್, ರುದ್ರಮುನಿ, ಡಾ.ಸಿದ್ದಲಿಂಗಪ್ಪ, ಮತ್ತು ಪದಾಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಅಂತರಂಗ
ಭೀಮಾ ಕೋರೆಗಾಂವ ; ಮಹರ್ ಸೈನಿಕರ ವೀರಗಾಥೆ
~ ಡಾ. ಸುಜಾತಾ ಚಲವಾದಿ
ಭಾರತದ ಇತಿಹಾಸದಲ್ಲಿ ಅನೇಕ ಕ್ರೂರ ವ್ಯಂಗ್ಯಗಳಿವೆ. ಅವುಗಳಲ್ಲಿ ಪೇಶ್ವಾಶಾಹಿ ಆಡಳಿತವು ಒಂದು. ಅವರ ಆಡಳಿತ ಸಂದರ್ಭದಲ್ಲಿ ಅಸ್ಪೃಶ್ಯರು ತಮ್ಮ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಬದುಕುವ ಸ್ಥಿತಿಯಿತ್ತು. ಜಾತಿ ವ್ಯವಸ್ಥೆ ವಿಜೃಂಭಿಸುತ್ತಿದ್ದ ಕಾಲವದು.
ದೌರ್ಜನ್ಯ, ಅನ್ಯಾಯಕ್ಕೆ ಒಳಗಾಗಿ ಸದಾ ನೋವಿನ ಬದುಕು ಅಸ್ಪೃಶ್ಯರದ್ದಾಗಿತ್ತು. ಕಿತ್ತುತಿನ್ನುವ ಬಡತನ, ಹಸಿವು, ದಾರಿದ್ರö್ಯ, ಅಶಿಕ್ಷಿತರಾದ ಅಸ್ಪಶ್ಯರು ಅನ್ಯಾಯದ ವಿರುದ್ಧ ಹೋರಾಟ ಮಾಡುವುದು ಕನಸಿನ ಮಾತಾಗಿತ್ತು. ಇವರ ಬಲಹೀನತೆಯನ್ನು ಬಳಸಿಕೊಂಡು ‘ಪ್ರಾಣಿಗಿಂತ ಕೀಳಾಗಿ’ ನಡೆಸಿಕೊಳ್ಳುತ್ತಿದ್ದ ಪೇಶ್ವಾ ಆಡಳಿತವು ಶೂದ್ರರ, ನಿಮ್ನರ ಮೇಲೆ ತಮ್ಮ ಅಟ್ಟಹಾಸವನ್ನು ಮೆರೆಯುತ್ತಿದ್ದರು.
ಅನ್ಯಾಯಕ್ಕೆ ಒಳಗಾದ ಕೆಳಜಾತಿಯ ಮಹಾರರು, ಮಾಂಗರು, ಚಮ್ಮಾರರು ಮತ್ತು ಮಹಿಳೆಯರು ತತ್ತರಿಸಿ ಹೋಗಿದ್ದರು. ಮಹಾರಾಷ್ಟçದ ಪೇಶ್ವಾಶಾಹಿ ಕಾಲಘಟ್ಟದಲ್ಲಿ ನಡೆದ ಭೀಮಾ ಕೋರೆಗಾಂವ ಚಳವಳಿಯನ್ನು ಬರಹದ ರೂಪದಲ್ಲಿ ಬಾಬಾಸಾಹೇಬ ಅಂಬೇಡ್ಕರ್ ನಮ್ಮ ಮುಂದೆ ಇರಿಸಿದ್ದಾರೆ.
1ನೇ ಜನವರಿ 1818ರಲ್ಲಿ ಅಂದರೆ ಇಂದಿಗೆ 207 ವರ್ಷಗಳ ಹಿಂದೆ 28,000 ಸಾವಿರ ಸಂಖ್ಯೆಯ ಪೇಶ್ವಾಸೈನ್ಯದ ಎದುರು ಐದುನೂರು ಮಹಾರ ಜನಾಂಗದವರು ಹೋರಾಡಿ ವಿಜಯ ಸಾಧಿಸಿದ ದಿನ ಕೋರೆಗಾಂವ್ ಯುದ್ಧ ‘ನ್ಯಾಯದ ಯುದ್ಧ’, ಇಡೀ ಪರಿಶಿಷ್ಟ ಜಾತಿಯವರಿಗೆ ಸ್ವಾಭಿಮಾನದ ಸಂಕೇತವಾಗಿ ಪರಿಣಮಿಸಿದೆ.
ಈ ದಿನವನ್ನು ಯಾವ ಮಹಾರರೂ ಮರೆಯುವ ಹಾಗಿಲ್ಲ. ಬಾಬಾಸಾಹೇಬರು ಈ ದಿನದ ಸ್ಮರಣೆಯನ್ನು “ದಲಿತರ ಪರಾಕ್ರಮ ದಿನ”ವೆಂದು ತಿಳಿದು ಕೋರೆಗಾಂವನಲ್ಲಿ ನಿರ್ಮಿಸಿದ ವಿಜಯಸ್ತಂಭ ಸ್ಮಾರಕಕ್ಕೆ ವಂದಿಸಲು ಪ್ರತೀ ವರ್ಷ ಜನವರಿ 1 ರಂದು ತಪ್ಪದೇ ಹೋಗಿ ಬರುತ್ತಿದ್ದರು. ಜಾತಿಪದ್ಧತಿಯೇ ಪ್ರಧಾನವಾದ ಕಾಲದಲ್ಲಿ ಅಸ್ಪಶ್ಯರ ಸ್ಥಿತಿ ತುಂಬಾ ಹದಗೆಟ್ಟು ಹೋಗಿತ್ತು. ಮೇಲು-ಕೀಳು ಎಂಬ ಭಾವನೆ ಏರುಮುಖದಲ್ಲಿದ್ದ ಕಾಲ.
ಮನುಸ್ಮೃತಿಯನ್ನು ಚಾಚೂ ತಪ್ಪದೇ ಮುನ್ನಡೆಸಿಕೊಂಡು ಬರುವ ಮೇಲ್ವರ್ಗದವರು ಅಸ್ಪೃ್ಪಶ್ಯರನ್ನು ಕಂಡರೆ ಅನೇಕ ಬಗೆಯ ಶಿಕ್ಷೆಗೆ ಒಳಗು ಮಾಡುತ್ತಿದ್ದರು. ಅಸ್ಪೃಶ್ಯರನ್ನು ಕಂಡರೆ ಮೈಲಿಗೆಯಾಗುತ್ತದೆ ಎನ್ನುವ ಮನಸ್ಥಿತಿ ಅವರದ್ದು, ಅಸ್ಪೃಶ್ಯ ರಸ್ತೆಗೆ ಇಳಿಯಕೂಡದು, ಒಳ್ಳೆ ಬಟ್ಟೆ ಹಾಕಿಕೊಳ್ಳುವ ಹಾಗಿಲ್ಲ, ಒಳ್ಳೆಯ ಆಹಾರ ಸೇವನೆಯಂತೂ ಕನಸಿನ ಮಾತಾಗಿತ್ತು. ಊರ ಪ್ರವೇಶಕ್ಕೆ ಸಮಯ ನಿಗದಿ ಮಾಡಿದ್ದರು.
ಸೂರ್ಯೋದಯ, ಸೂರ್ಯಾಸ್ತದ ಸಂದರ್ಭದಲ್ಲಿ ಅಸ್ಪೃಶ್ಯ ವ್ಯಕ್ತಿ ಊರಲ್ಲಿ ಬರುವಂತಿರಲಿಲ್ಲ. ಸೂರ್ಯ ನೆತ್ತಿಯ ಮೇಲಿದ್ದಾಗ ಮಾತ್ರ ಊರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಬೀದಿಯಲ್ಲಿ ಹೋಗಬೇಕಾದರೆ ಕೊರಳಿಗೆ ಮಣ್ಣಿನ ಸಣ್ಣ ಕುಡಿಕೆಯನ್ನು ಹಾಕಿಕೊಂಡು ಹೋಗಬೇಕು, ಉಗುಳುವ ಸಂದರ್ಭ ಬಂದರೆ, ಅದೇ ಕುಡಿಕೆಯಲ್ಲಿಯೇ ಉಗುಳಿಕೊಳ್ಳಬೇಕು. ಕಾರಣ ರಸ್ತೆಯಲ್ಲಿ ಅಸ್ಪೃಶ್ಯರು ಉಗುಳಿದರೆ ಅವನ ಹೇಸಿಗೆಯನ್ನು ಸವರ್ಣೀಯರು ತುಳಿಯಬಾರದು.
ತುಳಿದರೆ ಮೈಲಿಗೆಯಾಗುತ್ತಿತ್ತು. ರಸ್ತೆಯಲ್ಲಿ ನಡೆಯುವಾಗ ಆತನ ನೆರಳು ಅವನ ಕಾಲಲ್ಲಿಯೇ ಉಳಿಯುವ ಹಾಗೇ ಮಧ್ಯಾಹ್ನದ ನೆತ್ತಿ ಸುಡುವ ಬಿಸಿಲಿನಲ್ಲಿ ಮಾತ್ರ ಊರಲ್ಲಿ ಬರಬೇಕು. ನಡೆದುಕೊಂಡು ಹೋಗುವಾಗ ಹೆಜ್ಜೆ ಗುರುತುಗಳು ಕಾಣದಿರಲಿ ಎಂದು ಬೆನ್ನಿಗೆ ಮುಳ್ಳಿನ ಪೊರಕೆಯನ್ನು ಕಟ್ಟಿಕೊಂಡು ಸಾಗಬೇಕಾದ ಸ್ಥಿತಿ ಅವರದಾಗಿತ್ತು. ಹಾಗೇ ಅಸ್ಪೃಶ್ಯನೊಬ್ಬ ಬರುವುದನ್ನು ‘ಸಂಭೋಳಿ ಸಂಭೋಳಿ ಮಾಯ್ ಬಾಪ್ ಹೊಲೆಯ ಬರುತ್ತಿದ್ದೇನೆ’ ಅಂತಾ ಕೂಗಿ ಹೇಳಬೇಕು. ಇಲ್ಲ, ಕೈಯಲ್ಲಿ ಗೆಜ್ಜೆಕಟ್ಟಿದ ಕೋಲನ್ನು ಹಿಡಿದುಕೊಂಡು ನೆಲಕ್ಕೆ ಕುಕ್ಕಿಸಿಕೊಂಡು ಸದ್ದು ಮಾಡುತ್ತ ಹೋಗಬೇಕು.
ಇದಲ್ಲದೆ ಅಸ್ಪೃಶ್ಯ ಊರ ಪ್ರವೇಶ ಮಾಡಿದಾಗ ಯಾರಾದರೂ ಎದುರು ಬಂದರೆ ಸುಡುವ ಬಿಸಿಲಲ್ಲಿ ಓಡಿ ಹೋಗಿ ಭೂಮಿಯನ್ನು ಅಪ್ಪಿಕೊಳ್ಳಬೇಕು. ಸವರ್ಣೀಯರಿಗೆ ಅವನ ನೆರಳೂ ಸ್ಪರ್ಶ ಮಾಡುವಂಗಿರಲಿಲ್ಲ. ಇಂತಹ ಅಮಾನವೀಯ ನಿಯಮಗಳನ್ನು ಹೊರಡಿಸಿದ ಕಾಲಘಟ್ಟವದು. ಇಷ್ಟೆಲ್ಲಾ ನಿಯಮಗಳನ್ನು ಅಸ್ಪಶ್ಯರ ಮೇಲೆ ಹೇರಿದರೂ ಕೂಡಾ ಮಹಾರ್ ಸೈನಿಕರು ತಮ್ಮ ಪ್ರಾಣವನ್ನು ಲೆಕ್ಕಿಸದೆ ಮೊಗಲರ ಬೃಹತ್ ಸೈನ್ಯದ ವಿರುದ್ಧ ಹೋರಾಡಿ ಪೇಶ್ವೆಗಳ ಪರವಾಗಿ ಯುದ್ಧಕ್ಕೆ ಸನ್ನದ್ಧರಾಗಿದ್ದರು. ಮಹಾರ್ ಸೈನಿಕರ ಶೌರ್ಯದಿಂದಲೇ ಪೇಶ್ವೆಗಳ ಆಡಳಿತ ಸುಗಮವಾಗಿ ನಡೆಯುತ್ತಿತ್ತು. ಆದರೆ ಪೇಶ್ವಗಳು ಮತ್ತು ಸವರ್ಣೀಯರು ಮಹಾರ್ಸೈನಿಕರನ್ನು ತುಚ್ಛವಾಗಿ ನಡೆಸಿಕೊಳ್ಳುತ್ತಿದ್ದರು.
1758 ರಲ್ಲಿ ಬ್ರಿಟಿಷರು ಈಸ್ಟ್ ಇಂಡಿಯಾ ಕಂಪನಿಯನ್ನು ಸ್ಥಾಪಿಸಿದ ನಂತರ ಮಹಾರ್ ಜನರನ್ನು ಸೈನಿಕರಾಗಿ ನೇಮಕ ಮಾಡಿಕೊಳ್ಳಲು ಪ್ರಾರಂಭಿಸಿದರು. ಭಾರತೀಯ ಮಹಾರ್ ಸೈನಿಕರಿಗೆ ಶಿಕ್ಷಣದ ಅವಕಾಶವನ್ನು ಮಾಡಿಕೊಟ್ಟಿದ್ದರ ಪರಿಣಾಮ ಸ್ವಲ್ಪ ಮಟ್ಟಿಗೆ ತಿಳಿವಳಿಕೆ ಮೂಡಲು ಸಹಾಯವಾಯಿತು. ತಮ್ಮ ಹಕ್ಕು-ಬಾಧ್ಯತೆಗಳನ್ನು ತಿಳಿಯುವಂತಾಯಿತು. ಬ್ರಿಟಿಷರಲ್ಲಿ ಇರದ ಜಾತಿವ್ಯವಸ್ಥೆ ನಮ್ಮ ದೇಶದಲ್ಲಿ ಕಂಡ ಮಹಾರ್ ಸೈನಿಕರು ಬ್ರಿಟಿಷರಿಗೆ ತಮ್ಮ ಬೆಂಬಲವನ್ನು ನೀಡುವಂತಾಯಿತು. ಅವಮಾನ, ಅನ್ಯಾಯ, ದೌರ್ಜನ್ಯಕ್ಕೆ ಒಳಗಾದ ಮಹಾರ್ ಜನಾಂಗದವರು, ಈ ಎಲ್ಲದರಿಂದ ಮುಕ್ತಿ ಕಾಣಲು ಬ್ರಿಟಿಷರ ಪರವಾಗಿ ಯುದ್ಧಗಳಲ್ಲಿ ಹೋರಾಡಲು ಪ್ರಾರಂಭಿಸಿದರು.
ಎರಡನೆಯ ಬಾಜೀರಾವ್ ಪೇಶ್ವೆಯ ರಾಜ್ಯಾಡಳಿತವಿದ್ದ ಸಂದರ್ಭದಲ್ಲಿ 31 ನೇ ಡಿಸೆಂಬರ್ 1817 ರ ರಾತ್ರಿ ಬ್ರಿಟಿಷರ ಸೇನಾಪತಿ ಕ್ಯಾಪ್ಟನ್ ಫ್ರಾನ್ಸಿಸ್ ಸ್ಟಂಡನ್ ಮುಂದಾಳತ್ವದಲ್ಲಿ ಸೇನೆ ಪೇಶ್ವೆಗಳ ಮೇಲೆ ದಾಳಿ ಮಾಡಲು ಸಿದ್ಧಗೊಂಡಿತು. ಇದನ್ನು ತಿಳಿದ ಮಹಾರ್ ಬೆಟಾಲಿಯನ್ನಿನ ನಾಯಕ ಸಿದ್ಧನಾಕ ಮಾರುವೇಷದಲ್ಲಿ ಪೇಶ್ವೆಯನ್ನು ಕಾಣುತ್ತಾನೆ. ಆಗ ಪೇಶ್ವೆ ಮಹಾರ್ ಬೆಟಾಲಿಯನ್ನಿನ ನಾಯಕ ಸಿದ್ಧನಾಕನನ್ನು ಒಳಗೆ ಬಿಟ್ಟವನನ್ನು ಕೊಲ್ಲಿಸುತ್ತಾನೆ. ಇಂಗ್ಲಿಷರು ನಿಮ್ಮ ಮೇಲೆ ಯುದ್ಧ ಮಾಡುವರಿದ್ದಾರೆ, ನೀವು ನಮ್ಮ ಹಕ್ಕುಗಳನ್ನು ನಮಗೆ ನೀಡುವುದಾದರೆ ನಿಮ್ಮ ಪರವಾಗಿ ಅವರ ವಿರುದ್ಧ ನಾವು ಹೋರಾಡುತ್ತೇವೆ ಎನ್ನುತ್ತಾನೆ. “ನಿಮ್ಮ ಹಕ್ಕುಗಳು ಯಾವವು? ನೀನು ಇನ್ನೊಂದು ಘಳಿಗೆ ಇಲ್ಲಿ ನಿಂತರೆ ನಿನ್ನ ಶಿರಚ್ಛೇದನ ಮಾಡುತ್ತೇನೆ” ಎಂದು ಗದರುತ್ತಾನೆ. ಸಿದ್ಧನಾಕ ಮರಳಿ ಬಂದು ಅಲ್ಲಿ ನಡೆದ ಎಲ್ಲ ವಿವರ ಸಂಗಾತಿಗಳಿಗೆ ನೀಡುತ್ತಾನೆ. ಅಂತಿಮವಾಗಿ ಇಂಗ್ಲಿಷರ ಪರವಾಗಿ ಮಹಾರ್ ಬೆಟಾಲಿಯನ್ ಹೋರಾಡಲು ಸಿದ್ಧವಾಗುತ್ತದೆ. ಪೇಶ್ವೆಗಳ ಸೈನ್ಯ ಕೋರೆಗಾಂವ್ ಪ್ರದೇಶದ ಭೀಮಾನದಿಯ ಬಲದಂಡೆಯ ಮೇಲೆ ಯುದ್ಧಕ್ಕೆ ಸಜ್ಜಾಗಿ ಸುತ್ತುವರೆದು ನಿಂತುಕೊಂಡಿತು. ಮಹಾರ್ ರೆಜಿಮೆಂಟ್ ಸೈನ್ಯ ಬ್ರಿಟಿಷರ ಪರವಾಗಿ ಯುದ್ಧಕ್ಕೆ ಸಜ್ಜಾಗಿದ್ದರು.
ಪೇಶ್ವೆಗಳ ಸೇನೆಯು 25,000 ಕುದುರೆ ಸವಾರರು ಮತ್ತು 3,000 ಕ್ಕಿಂತಲೂ ಹೆಚ್ಚು ಸಂಖ್ಯೆಯಲ್ಲಿದ್ದ ಯೋಧರಿಂದ ತುಂಬಿ ತುಳುಕುತ್ತಿತ್ತು. ಎರಡೂ ಸೇನೆಗಳ ನಡುವೆ ಘನಘೋರ ಯುದ್ಧ ಪ್ರಾರಂಭವಾಗುತ್ತದೆ. ಬೃಹತ್ ಸೇನೆಯ ವಿರುದ್ಧ ಬ್ರಿಟಿಷ್ ಸೇನಾಪತಿ ಕ್ಯಾಪ್ಟನ್ ಪ್ರಾನ್ಸಿಸ್ ಸ್ಟಂಡನ್ ತಾನು ಸೋಲುತ್ತೇನೆ ಎಂದುಕೊAಡು ನಿರಾಶೆಯನ್ನು ತಳೆದಿದ್ದ. ಆದರೂ ಎದುರಾಳಿಯ ಜೊತೆ ಯುದ್ಧದಲ್ಲಿ ಮುನ್ನುಗ್ಗುವುದು ಆತನ ವಿಚಾರವಾಗಿತ್ತು. “ಮಹಾರ್ ಸೈನಿಕರು ವೀರಾವೇಶದಿಂದ ಹೋರಾಡಿ ಪೇಶ್ವೆಗಳು ಪಲಾಯನ ಗೈಯ್ಯಲು ಕಾರಣರಾದರು. ಈ ಯುದ್ಧದಲ್ಲಿ ಎರಡನೆಯ ಬಾಜಿರಾವ್ ಪೇಶ್ವೆಯು ಪಲಾಯನ ಮಾಡುವುದರಲ್ಲಿ ಮೊದಲಿಗ”ನೆಂದು ಬಾಬಾಸಾಹೇಬರು ತಮ್ಮ ಬರಹದಲ್ಲಿ ದಾಖಲಿಸಿದ್ದಾರೆ.
ಬೆಳಿಗ್ಗೆ ಆರು ಗಂಟೆಗೆ ಪ್ರಾರಂಭವಾದ ಯುದ್ಧ ರಾತ್ರಿ ಆರು ಗಂಟೆಗೆ ಮುಕ್ತಾಯಗೊಳ್ಳುತ್ತದೆ. ಸಂಖ್ಯೆಯಲ್ಲಿ ಅಲ್ಪವಾಗಿದ್ದರೂ ಅತ್ಯಂತ ಕೆಚ್ಚಿನಿಂದ ಕಲಿತನ ಪ್ರದರ್ಶಿಸಿದ ಮಹಾರ್ ಯೋಧರು, ತಮ್ಮ ಮೇಲೆ ಅಮಾನವೀಯವಾದ ಅಸ್ಪೃಶ್ಯತೆಯನ್ನು ಹೇರಿದ್ದ ಪೇಶ್ವೆ ಆಡಳಿತವನ್ನು ಯುದ್ಧದಲ್ಲಿ ಮಣ್ಣು ಮುಕ್ಕಿಸಿದರು. ಮಹಾರ್ ಸೈನಿಕರ ಅಭೂತಪೂರ್ವ ಕಲಿತನದ ಕಾರಣದಿಂದಲೇ ಬ್ರಿಟಿಷರು ಕೋರೆಗಾಂವ್ ಯುದ್ಧವನ್ನು ಗೆಲ್ಲಲು ಸಾಧ್ಯವಾಯಿತು. ಗೆಲುವಿಗೆ ಕಾರಣರಾದ, ಕದನದಲ್ಲಿ ಹುತಾತ್ಮರಾದ ಯೋಧರನ್ನು ಸದಾಕಾಲ ಸ್ಮರಿಸುವಂತೆ ಕೋರೆಗಾಂವನ ಭೀಮಾನದಿ ತೀರದ ಪ್ರಶಸ್ತವಾದ ಮೈದಾನ, ಕದನದ ಕಿಡಿ ಮೊಟ್ಟ ಮೊದಲು ಹೊತ್ತಿದ ಸ್ಥಳದಲ್ಲಿ ಬ್ರಿಟಿಷರು ಸ್ಮರಣ ಸ್ತಂಭವನ್ನು ಸ್ಥಾಪಿಸಿದರು.
26 ನೆಯ ಮಾರ್ಚ್ 1821 ರಲ್ಲಿ ಈ ಭವ್ಯ ವಿಜಯಸ್ತಂಭಕ್ಕೆ ಅಡಿಗಲ್ಲು ಹಾಕಿದಾಗ ಬಂದೂಕು ಮತ್ತು ತೋಪುಗಳ ಮೂಲಕ ಹುತಾತ್ಮರಿಗೆ ರಾಜಮರ್ಯಾದೆಯ ಶ್ರದ್ಧಾಂಜಲಿ ಸಲ್ಲಿಸಲಾಯಿತು. 63 ಅಡಿ ಎತ್ತರ ಇರುವ ಈ ವಿಜಯಸ್ತಂಭವು 1822 ರಲ್ಲಿ ಪೂರ್ಣವಾಗಿ ನಿರ್ಮಾಣವಾಯಿತು. ಮೊದಲಿಗೆ ಈ ಸ್ತಂಭವನ್ನು ಮಹಾರ್ ಸ್ತಂಭವೆAದು ಕರೆಯಲಾಗುತ್ತಿತ್ತು. ನಂತರದಲ್ಲಿ ವಿಜಯಸ್ತಂಭವೆಂದು ಹೆಸರಿಸಲಾಯಿತು.
ವಿಜಯಸ್ತಂಭದ ಮೇಲೆ 20 ಮಹಾರ್ ಸೈನಿಕರ ಹೆಸರುಗಳನ್ನು ಕೆತ್ತಿಸಲಾಗಿದೆ. ಪ್ರತಿವರ್ಷ ಜನೆವರಿ 1 ರಂದು ಬಾಬಾಸಾಹೇಬರು ಕೋರೆಗಾಂವ್ ವಿಜಯಸ್ತಂಭಕ್ಕೆ ಭೇಟಿ ಕೊಟ್ಟು ನಮನವನ್ನು ಸಲ್ಲಿಸುತ್ತಿದ್ದರು. ಇಂತಹ ಐತಿಹಾಸಿಕ ವಿಜಯದ ಸಂಕೇತವಾದ ಕೋರೆಗಾಂವ ಚಳವಳಿಯನ್ನು ಮತ್ತೆ ಮತ್ತೆ ನೆನೆಯುವುದು ಇಂದಿನ ಅನಿವಾರ್ಯವೂ ಹೌದು. ಏಕೆಂದರೆ ಬಾಬಾಸಾಹೇಬರೇ ಹೇಳಿದ ಹಾಗೆ “ಇತಿಹಾಸವನ್ನು ತಿಳಿಯದವನು ಇತಿಹಾಸವನ್ನು ಸೃಷ್ಟಿಸಲು ಸಾಧ್ಯವಾಗದು” ಎಂದಿದ್ದಲ್ಲದೆ ದಲಿತರಾರೂ ಕುರಿಗಳಲ್ಲ, ಅವರು ಹುಲಿಗಳು’ ಎಂದು ಹೇಳಿರುವುದನ್ನು ಮತ್ತೆ ಮತ್ತೆ ಮನನಿಸಬೇಕಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಕುವೆಂಪು ಅವರಿಗೆ ಲಂಕೇಶರ ಎಂಟು ಪ್ರಶ್ನೆಗಳು
ಕುವೆಂಪು ಅವರನ್ನು ನಾನು ಅಂದು ನೋಡಿದ್ದು ಎರಡನೆ ಸಲ. ನಾನು ನೋಡಲು ಬಂದಿರುವ ವಿಷಯ ತಿಳಿದು ಕೈಯಲ್ಲಿ ನನ್ನ ಪ್ರಶ್ನೆ ಮತ್ತು ತಮ್ಮ ಉತ್ತರಗಳಿಂದ ಕೂಡಿದ ಟೈಪ್ ಮಾಡಿದ ಹಾಳೆಗಳನ್ನು ಹಿಡಿದುಕೊಂಡು ಬಂದರು. ನಾನು ಮತ್ತು ಮಿತ್ರ ನೆಲಮನೆ ದೇವೇಗೌಡರು ನಮಸ್ಕರಿಸಿದೊಡನೆ ಕೂತು ಪ್ರಶ್ನೆ ಮತ್ತು ಉತ್ತರಗಳನ್ನು ಓದುತ್ತ ವಿವರಿಸತೊಡಗಿದರು.
ತಮಗೆ ಯಾವುದೇ ಜಾತಿಯ ಬಗ್ಗೆ ಒಣ ಅಭಿಮಾನವಾಗಲಿ ಅನಗತ್ಯ ಪೂರ್ವಗ್ರಹವಾಗಲಿ ಇಲ್ಲವೆಂದು ಸ್ಪಷ್ಟಪಡಿಸಿದರು. ಅವರ ಮಾತಿನಲ್ಲಿ ತಮ್ಮ ಉತ್ತರಗಳು ಜನಕ್ಕೆಲ್ಲಿ ತಿಳಿಯುವುದಿಲ್ಲವೋ ಎಂಬ ಆತಂಕವಿದ್ದಂತಿತ್ತು. ಆದ್ದರಿಂದ ತಮ್ಮ ಕೃತಿಗಳಿಂದ ಉದಾಹರಣೆ ಎತ್ತಿಕೊಂಡು ಮಾತಾಡಿದರು. ನಾನು ಅವೆಲ್ಲವನ್ನೂ ಓದಿದ್ದೆನಾದ್ದರಿಂದ ಆ ವಿವರಣೆ ಅನಗತ್ಯವಾಗಿತ್ತು. ಆದರೆ ಕುವೆಂಪು ಅವರಿಗೆ ಅದಮ್ಯ ಉತ್ಸಾಹವಿದೆ; ಈ ಸಮಾಜದ ಕೆಡಕುಗಳ ಬಗ್ಗೆ ಕೋಪವಿದೆ. ತಾವು ಎಷ್ಟೇ ಬರೆದರೂ ಮಾತಾಡಿದರೂ ಈ ಜನತೆ ಸರಿಹೋಗುತ್ತದೋ ಇಲ್ಲವೋ ಎಂಬ ಸಂದೇಹವಿದೆ. ಆದ್ದರಿಂದಲೇ ಹಲವೊಮ್ಮೆ ವ್ಯಗ್ರವಾಗಿ ಮಾತಾಡುತ್ತಾರೆ. ಅವರು ನನ್ನ ಪ್ರಶ್ನೆಗಳಿಗೆ ಉತ್ತರ ಹೇಳುತ್ತ ಹೊಸ ಸಾಹಿತ್ಯದ ಬಗ್ಗೆ ಮಾತಾಡಿರುವುದನ್ನೂ ಈ ಅರ್ಥದಲ್ಲೇ ತೆಗೆದುಕೊಳ್ಳಬೇಕೆಂದು ಕಾಣುತ್ತದೆ.
ಕಿರಿಯ ಲೇಖಕರು ಯಾರಿಗೂ ಅರ್ಥವಾಗದ ಗೊಂದಲಗಳಲ್ಲಿ ಸಿಲುಕಿಕೊಂಡು ತಮ್ಮನ್ನು ತಾವು ಮೋಸಗೊಳಿಸಿಕೊಳ್ಳುವ ಬದಲು ಸಮಾಜಕ್ಕೆ ತಮ್ಮನ್ನು ತಾವು ತೆರೆದುಕೊಳ್ಳಬೇಕೆಂದೂ ಸಮಾಜದ ಅನಿಷ್ಟಗಳನ್ನು ಸರಿಪಡಿಸಬೇಕೆಂದೂ ಅವರು ಸೂಚಿಸುತ್ತಾರೆ. ಇದು ಕಿರಿಯ ಬರಹಗಾರರು ಅನುಭವ ಪಡೆಯುವ ಬಗ್ಗೆ ಉತ್ತಮ ಹಿತವಚನ. ಇನ್ನೊಂದು ಬಗೆಯಲ್ಲಿ ಇದು ನೀತಿ ಪಾಠ. ಇವೆರಡೂ ಕುವೆಂಪು ಮಾತುಗಳಲ್ಲಿರುವುದು ಎಂಥವರಿಗೂ ಕಂಡು ಬರುತ್ತದೆ.
ಆವೊತ್ತು ಮಾತಾಡುವ ಮೂಡಲ್ಲಿದ್ದರು ಕುವೆಂಪು ನಾವಿಬ್ಬರೂ ಕೆಲಸದ ಮೂಡಿನಲ್ಲಿದ್ದೆವು. ಅವರು ತಮ್ಮ ‘ರಾಮಾಯಣ ದರ್ಶನಂ’ನಿಂದ ಓದಿ ತೋರಿಸುವುದಾಗಿ ಸೂಚಿಸಿ ಬೇರೊಂದು ವಿಷಯ ಎತ್ತಿಕೊಂಡು ವಿವರಿಸತೊಡಗಿದರು. ‘ಪಾಂಚಾಲಿ’ ವಿವಿಧ ತೊಡಕುಗಳಲ್ಲಿ ಸಿಲುಕಿದ್ದ ನಾನು ಮತ್ತು ದೇವೇಗೌಡರು ನಮಸ್ಕಾರ ಹೇಳಿ ಹೊರಬಿದ್ದೆವು.
ಕುವೆಂಪು ಒಂದು ಸಂಸ್ಥೆ ಅಥವಾ ದೇವತೆಯಾಗಿ ಹುಂಬರ ಮನಸ್ಸಿನಲ್ಲಿ ಬೆಳೆಯುತ್ತಿದ್ದ ವೇಳೆಗೆ ಸರಿಯಾಗಿ ಅವರು ಮೈಕೊಡವಿಕೊಂಡು ಹೊರಬಂದು ಮನುಷ್ಯರೂ ವಿಚಾರವಾದಿಗಳೂ ಆಗಿ ಮಾತಾಡುತ್ತಿದ್ದುದು ನನಗೆ ಸಂತಸ ಉಂಟುಮಾಡಿತ್ತು.
——————————————————————-
ಲಂಕೇಶ್: ಸಾಮಾನ್ಯವಾಗಿ ಸಾರ್ವಜನಿಕ ಸಭೆಗಳಲ್ಲಿ ಮತ್ತು ವಾದವಿವಾದಗಳಲ್ಲಿ ಭಾಗವಹಿಸದ ತಾವು ಈಚೆಗೆ ಹೀಗೆ ಭಾಗವಹಿಸುವ ಮೂಲಕ ತಮ್ಮ ವಿಶಿಷ್ಟ ಬಗೆಯ ಕೀರ್ತಿಗೆ ಕಳಂಕ ತಂದುಕೊಳ್ಳುತ್ತಿರಬಹುದೇ ಎಂಬ ಅಳುಕು ತಮ್ಮ ಅಭಿಮಾನಿಗಳಲ್ಲಿ ಕೆಲವರಿಗಿದೆ. ಈ ಬಗ್ಗೆ ತಮ್ಮ ಅಭಿಪ್ರಾಯವೇನು?
ಕುವೆಂಪು: ಕೀರ್ತಿಗಿಂತಲೂ ನನಗೆ ಹೆಚ್ಚು ಪ್ರಿಯವಾದದ್ದು ಸತ್ಯ. ಸತ್ಯ ಹೇಳಿದರೆ ಕಲುಷಿತವಾಗುವ ಕೀರ್ತಿ ಭ್ರಷ್ಟಾಚಾರದ ವಸ್ತುವಾಗುತ್ತದೆ. ಅಲ್ಲದೆ ‘ಕೀರ್ತಿಶನಿ’ ಎಂಬ ನನ್ನ ಸಾನೆಟ್ಟಿನಲ್ಲಿ ಅನೇಕ ವರ್ಷಗಳ ಹಿಂದೆಯೇ ನಾನು ಅದನ್ನು ‘ತೊಲಗಾಚೆ’ ಎಂದು ತೊಲಗಿಸಿದ್ದೇನೆ. ಆದರೂ, ಶ್ರೀ ಎ.ಆರ್. ಕೃಷ್ಣಶಾಸ್ತ್ರಿಗಳು ಹೇಳಿದಂತೆ, ಶನಿ ಒಮ್ಮೆ ಬೆನ್ನು ಹತ್ತಿದರೆ ಬಿಡುವುದಿಲ್ಲವಂತೆ. ನನ್ನ ಮತ್ತೊಂದು ಸಾನೆಟ್ ‘ಯಶೋಲಕ್ಷ್ಮಿ’ ಈ ವಿಚಾರವಾಗಿ ನನ್ನ ಭಾವನೆ ಏನು ಎಂಬುದನ್ನು ತಿಳಿಸುತ್ತದೆ. ಕೀರ್ತಿ ಕಲುಷಿತವಾಗುವುದಿರಲಿ ಅಪಕೀರ್ತಿಯೆ ಬಂದರು ಸತ್ಯ ಹೇಳುವುದನ್ನು ಬಿಡುವುದಿಲ್ಲ.
ಲಂಕೇಶ್: ಕೆಟ್ಟಿರಲಿ, ಕೆಡದಿರಲಿ ಭಾರತೀಯ ಸಂಸ್ಕೃತಿಯೆಂದರೆ ವೈದಿಕ ಸಂಸ್ಕೃತಿಯೇ ಎಂಬ ಅಭಿಪ್ರಾಯದ ಬಗ್ಗೆ ನಿಮಗೇನೆನ್ನಿಸುತ್ತದೆ?
ಕುವೆಂಪು: ಇದೊಂದು ತಪ್ಪು ಅಭಿಪ್ರಾಯ. ಭಾರತೀಯ ಸಂಸ್ಕೃತಿ ಬರಿಯ ವೈದಿಕವಲ್ಲ. ಅವೈದಿಕವೂ ಅದರ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ. ಬೌದ್ಧ, ಜೈನಗಳಲ್ಲದೆ ನ್ಯಾಯ, ವೈಶ್ಲೇಷಿಕ, ಸಾಂಖ್ಯ, ಯೋಗ ದರ್ಶನಗಳೂ ವೇದದ ಪರಮ ಪ್ರಾಮಾಣ್ಯವನ್ನು ಅವಿಚಾರಕವಾಗಿ ಒಪ್ಪಬೇಕು ಅನ್ನುವುದಿಲ್ಲ. ನನ್ನದು ವಿಶ್ವಸಂಸ್ಕೃತಿ. ಅಭಾರತೀಯವೂ ಅದರಲ್ಲಿ ಸೇರಿದೆ. ಸನಾತನವೂ (ಪುರಾತನ ಅಲ್ಲ.) ಶಾಶ್ವತವೂ ಆಧ್ಯಾತ್ಮಿಕವೂ ವಿಚಾರ ಮತ್ತು ವಿಜ್ಞಾನಗಳಿಗೆ ಅವಿರುದ್ಧವೂ ಆಗಿರುವ ಸತ್ಯ ಎಲ್ಲಿಯೇ ಇರಲಿ ಅದನ್ನು ನಾನು ಸ್ವೀಕರಿಸಿದ್ದೇನೆ.
ಲಂಕೇಶ್: ಬ್ರಾಹ್ಮಣ ಜಾತಿಯಲ್ಲಿ ಹಲವು ಒಳಪಂಗಡಗಳಿದ್ದರೂ ಕೇವಲ ಒಂದು ಪಂಗಡವನ್ನು ನೀವು ಟೀಕಿಸಿದ್ದು ಕೇವಲ ಉದಾಹರಣೆಗೋ ಅಥವಾ ಆ ಪಂಗಡ ತೀರಾ ಮಲಿನಗೊಂಡಿದೆ ಎಂಬ ಕಾರಣಕ್ಕೋ?
ಕುವೆಂಪು: ನನ್ನ ಭಾಷಣ ಬ್ರಾಹ್ಮಣರಿಗಾಗಲಿ, ಮಾಧ್ವರಿಗಾಗಲೀ ನಿರ್ದೆಶಿಸಿದ್ದಲ್ಲ; ಒಕ್ಕೂಟದವರಿಗಾಗಿ ಮಾತ್ರ. ಜಗತ್ತಿನ ಪುರೋಹಿತಶಾಹಿ ಅವೈಚಾರಿಕ ಮತ್ತು ಅವೈಜ್ಞಾನಿಕ ಮೂಢ ಭಾವನೆಗಳ ಆಶ್ರಯದಲ್ಲಿ ಶ್ರೀ ಸಾಮಾನ್ಯರನ್ನು ಹೇಗೆ ವಂಚಿಸುತ್ತಾ ಬಂದಿದೆ ಎನ್ನುವುದನ್ನು ಕುರಿತು ವಿಚಾರವಾದಿಗಳಾಗಿ ಬಾಳನ್ನು ನಡೆಸಬೇಕು ಎನ್ನುವ ತರುಣರಿಗೆ ತಿಳಿಸುತ್ತಿದ್ದೆ. ಪ್ರಾಸಂಗಿಕವಾಗಿ, ನಾನು ಕೆಲವೇ ದಿನಗಳ ಹಿಂದೆ ಆ ಪುಸ್ತಕಗಳನ್ನು ಓದುತ್ತಿದ್ದು ಸಂಗತಿ ಮನಸ್ಸಿನಲ್ಲಿ ಹೊಚ್ಚ ಹೊಸದಾಗಿ ಇದ್ದುದರಿಂದ ಮಧ್ವ-ಜಯತೀರ್ಥರ ನಿದರ್ಶನಗಳನ್ನು ಕೊಟ್ಟೆನಷ್ಟೆ; ಆಮೇಲೆ ಗುಲ್ಲೆದ್ದ ಮತಭ್ರಾಂತರ ಗಲಾಟೆಯಿಂದಲೇ ಗೊತ್ತಾದದ್ದು ನಾನು ಎಂತಹ ಹೇಸಿಗೆಯ ಹೊಂಡಕ್ಕೆ ಕಲ್ಲು ಎಸೆದಿದ್ದೇನೆ ಎಂದು.
ಲಂಕೇಶ್: ತಮ್ಮ ಕಾವ್ಯದ ಮತ್ತು ಮುಖ್ಯ ಕಥಾಸಾಹಿತ್ಯದ (fiction) ಕೇಂದ್ರ ನಿಲುವು ವೈದಿಕ, ಆದರ್ಶಮಯ, ಅವಾಸ್ತವ ಎಂದು ಹಲವರು ಟೀಕಿಸುತ್ತಾರೆ. ಇದಕ್ಕೆ ತಮ್ಮ ಉತ್ತರವೇನು?
ಕುವೆಂಪು: ಅವರ ತಲೆ; ನನ್ನದು ವಿಶ್ವಪ್ರಜ್ಞೆ. ನಾನು ಭಾರತೀಯನಾಗಿ ಅದರಲ್ಲೂ ಕನ್ನಡಿಗನಾಗಿ ಹುಟ್ಟಿದ್ದರಿಂದ ಆ ಸಂಸ್ಕೃತಿಯ ಮತ್ತು ಆ ಭಾಷೆಯ ಪರಿಭಾಷೆಯನ್ನು ಅನಿವಾರ್ಯವಾಗಿ ಉಪಯೋಗಿಸುತ್ತೇನಷ್ಟೆ. ಸತ್ಯ ವೈದಿಕವಾಗಿ ಪ್ರಕಟವಾದ ಮಾತ್ರಕ್ಕೆ ಅಸತ್ಯವಾಗುವುದಿಲ್ಲ. ಆದರ್ಶಮಯವಾದ ಮಾತ್ರಕ್ಕೆ ಅವಾಸ್ತವವಾಗುವುದಿಲ್ಲ. ನನ್ನ ಭಾಷಣದ ಉದ್ದೇಶವೆ ಒಕ್ಕೂಟದ ಹುಡುಗರನ್ನು ಅಂತಹ ತಪ್ಪುದಾರಿಗೆ ಹೋಗದಿರುವಂತೆ ತಡೆಯಬೇಕು ಎಂಬುದಾಗಿತ್ತು. ಚಿನ್ನದ ಒಡವೆಯನ್ನು ಅಕ್ಕಸಾಲಿ ಮಾಡಿದ ಮಾತ್ರಕ್ಕೆ ಚಿನ್ನ ಅಸತ್ಯವಾಗುತ್ತದೆಯೇ? ಗ್ರಾವಿಟೇಶನ್ ಸಿದ್ಧಾಂತವನ್ನು ನ್ಯೂಟನ್ ಕಂಡುಹಿಡಿದ ಮಾತ್ರಕ್ಕೆ ಅದು ಕ್ರೈಸ್ತವಾಗುತ್ತದೆಯೇ? ವೇದದ ಋಷಿ ಸನಾತನ ಶಾಶ್ವತ ಸತ್ಯವನ್ನು ಸಾಕ್ಷಾತ್ಕರಿಸಿಕೊಂಡು ಅದಕ್ಕೆ ‘ಬ್ರಹ್ಮನ್’ ಎಂದು ಹೆಸರು ಕೊಟ್ಟ ಮಾತ್ರಕ್ಕೆ ಆ ಸತ್ಯ ಆ ಋಷಿಯ ಸೃಷ್ಠಿಯಾಗುತ್ತದೆಯೇ? ಆ ಸತ್ಯ ಋಷಿಗೆ ಪೂರ್ವದಲ್ಲಿಯೇ ಇದ್ದುದು; ಆ ಋಷಿ ಮಾತ್ರವಲ್ಲ ಮನುಷ್ಯರೆಲ್ಲ ಮುಗಿದ ಮೇಲೆಯೂ ಆ ಸತ್ಯಕ್ಕೆ ಚ್ಯುತಿ ಬರುವುದಿಲ್ಲ. ಗುರುತ್ವಾಕರ್ಷಣ ಶಕ್ತಿ ನ್ಯೂಟನ್ನಿಗೆ ಪೂರ್ವದಲ್ಲಿಯೂ ಇತ್ತು, ಮನುಷ್ಯ ಕುಲವೇ ನಾಶವಾದ ಮೇಲೆಯೂ ಇರುತ್ತದೆ.
ಅಂತಹ ಸತ್ಯವನ್ನು ನಿತ್ಯ, ಸನಾತನ ಶಾಶ್ವತ ಎನ್ನುತ್ತೇವೆ. ಬೇರೆ ಬೇರೆ ದೇಶಗಳು, ಬೇರೆ ಬೇರೆ ಭಾಷೆಗಳೂ ಬೇರೆ ಬೇರೆ ಹೆಸರು ಕೊಡಬಹುದಷ್ಟೆ. ನನ್ನ ಜೀವನ ದರ್ಶನ ಅಂತಹ ಅಚ್ಯುತ ಸತ್ಯದ ಮೇಲೆ ನಿಂತಿದೆ. ನನ್ನ ಸಾಹಿತ್ಯವೂ ಅದನ್ನೆ ಅಭಿವ್ಯಕ್ತಗೊಳಿಸುತ್ತದೆ. ಅದನ್ನು ‘ನಿಮ್ಮಲ್ಲಿ’ ಕೆಲವರು ‘ವೈದಿಕ’ ಎಂದು ನಿಂದಿಸುವಂತೆ ‘ಅವರಲ್ಲಿ’ ಕೆಲವರು ‘ಅವೈದಿಕ’ ಎಂದೂ ತಿರಸ್ಕರಿಸುತ್ತಾರೆ. ಆದರೆ ನನ್ನ ಸಾಹಿತ್ಯ ಉದ್ಭವಿಸುವುದು ಬದುಕಿನಿಂದ, ಬದುಕಿಗಾಗಿ; ಮತ್ತು ಬದುಕಿನಾಚೆಯ ಬದುಕಿಗಾಗಿ.
ಲಂಕೇಶ್: ಈಚೆಗೊಬ್ಬರು ತಮ್ಮ ಸಾಮಾಜಿಕ ವಿಮರ್ಶೆಯನ್ನು ಕುರಿತು ಹೇಳುತ್ತಾ ‘ಕುವೆಂಪು ಅವರ ಮಾತಿನಲ್ಲಿ ಬ್ರಾಹ್ಮಣ ವಿರೋಧಿ ಧ್ವನಿ ಕೇಳಿ ಬರುತ್ತಿದ್ದರೆ ಅದಕ್ಕೆ ಕಾರಣವನ್ನು ಅವರ ವೈಯಕ್ತಿಕ ಅನುಭವದಲ್ಲಿ ಹುಡುಕಬೇಕು’ ಎಂದಿದ್ದಾರೆ. ಇದಕ್ಕೆ ತಮ್ಮ ಪ್ರತಿಕ್ರಿಯೆ?
ಕುವೆಂಪು: ಶುದ್ಧ ಅಪಾರ್ಥ! ಮೊದಲನೆಯದಾಗಿ ಅದು ಬ್ರಾಹ್ಮಣ ವಿರೋಧಿ ಧ್ವನಿಯಲ್ಲ. ಅಂದರೆ ಬೌದ್ಧ, ಜೈನ, ಕ್ರೈಸ್ತ, ಇಸ್ಲಾಂ ಮತ್ತು ಲಿಂಗಾಯಿತ ಪುರೋಹಿತಶಾಹಿಯನ್ನೂ ಒಳಗೊಂಡಿದೆ. ನನ್ನ ಪುರೋಹಿತಶಾಹಿ ಖಂಡನೆಗೆ ಕಾರಣವನ್ನು ನನಗಿರಬಹುದಾದ ವೈಯಕ್ತಿಕ ಅನುಭವದಲ್ಲಿ ಹುಡುಕುವುದು ಅತ್ಯಂತ ಹಾಸ್ಯಾಸ್ಪದ. ನನ್ನ ಮೂವತ್ತು ನಲವತ್ತು ವರ್ಷದ ಹಿಂದಿನ ಬರಹವನ್ನು ಯಾರೋ ಒಬ್ಬರು ಅಂದು ಟೀಕಿಸಿದುದಕ್ಕಾಗಿ ಇಂದು ನಾನು ನಲವತ್ತು ವರ್ಷಗಳ ಮೇಲೆ ರೊಚ್ಚು ತೀರಿಸಿಕೊಳ್ಳುವುದಕ್ಕೆ ಹಾಗೆ ಮಾತನಾಡಿದೆನೆಂದು ಹೇಳುವುದು ನನ್ನ ವ್ಯಕ್ತಿತ್ವಕ್ಕೆ ಅತ್ಯಂತ ‘ಅಲ್ಪತನ’ ಆರೋಪಿಸಿದಂತಾಗುತ್ತದೆ. ನಾನು ಅಷ್ಟು ‘ಸಣ್ಣ’ವನಲ್ಲ. ನಲವತ್ತು ಐವತ್ತು ವರ್ಷಗಳಿಂದಲೂ ನಾನು ಗದ್ಯ, ಪದ್ಯ, ನಾಟಕ ಎಲ್ಲದರಲ್ಲಿಯೂ ಹೇಳುತ್ತಾ ಬಂದಿರುವುದನ್ನೆ ಮೊನ್ನೆಯು ಹೇಳಿದ್ದೇನೆ ಅಷ್ಟೆ. ಆದರೆ ಇವರು ಯಾರೂ ನೀವೂ ಸೇರಿ, ನನ್ನ ಬರಹಗಳನ್ನು ಅಷ್ಟು ಆಸ್ಥೆಯಿಂದ ಓದಿಯೇ ಇಲ್ಲ ಎಂಬುದು ನನ್ನ ಗುಮಾನಿ. ಇಡೀ ರಾಮಾಯಣದರ್ಶನವೆ ನನ್ನ ‘ದರ್ಶನ’ಕ್ಕೆ ಒಡ್ಡಿದ ಮಹಾ ಪ್ರತಿಮೆಯಾಗಿದೆ. (ನಿಮ್ಮ ಎರಡನೆಯ ಪ್ರಶ್ನೆಗೆ ಕೊಟ್ಟಿರುವ ಉತ್ತರವನ್ನೂ ನೋಡಬಹುದು.)
ಲಂಕೇಶ್: ‘ಬ್ರಾಹ್ಮಣ’ ‘ಶೂದ್ರ’ ‘ಮಣ್ಣಿನ ವಾಸನೆ’ ಇತ್ಯಾದಿ ಮಾತು ಬಹಳವಾಗಿ ಕೇಳಿಬರುತ್ತಿರುವ ಈ ಕಾಲದಲ್ಲಿ ಬ್ರಾಹ್ಮಣ, ಶೂದ್ರರ ಭಾಷೆ, ಅನುಭವ ದೃಷ್ಟಿಯನ್ನು ಕುರಿತ ತಮ್ಮ ವಿಶ್ಲೇಷಣೆ ಏನು?
ಕುವೆಂಪು: ಈ ಮಾತುಗಳೆಲ್ಲ ಮತ್ತೆ ಪುರೋಹಿತಶಾಹಿಯ ಪಿತೂರಿಯ ಟಂಕಸಾಲೆಯ ನಾಣ್ಯಗಳೆ. ನಿಮ್ಮನ್ನು ದಿಕ್ಕು ತಪ್ಪಿಸಿ ಬದುಕಿನ ಋಜುಮಾರ್ಗದಿಂದ ಕಟಂಕಿತ ಮಾರ್ಗಕ್ಕೆ ತಳ್ಳುವ ಉಪಾಯದಿಂದಲೆ ಅವರು ಅವನ್ನು ಹುಟ್ಟಿಸಿದ್ದಾರೆ. ನೀವೂ ಹಿಂದಿನಂತೆಯೇ ಇಂದು ಬೆಪ್ಪುಗಳಾಗಿ ಅದಕ್ಕೆ ವಶರಾಗಿ, ಜನರ ಬದುಕನ್ನು ಮತಮೌಢ್ಯದಿಂದ ಪಾರು ಮಾಡಿ ಅವರನ್ನು ವೈಚಾರಿಕ ಬುದ್ಧಿ ಮತ್ತು ವೈಜ್ಞಾನಿಕ ದೃಷ್ಟಿ ಸಂಪನ್ನರಾಗಿ ಪರಿವರ್ತಿಸಿ ಅವರ ಮನಸ್ಸು ಮತ್ತು ಹೃದಯಗಳನ್ನು ಬೆಳಗುವ, ಅವರ ಸೋತ ಹೃದಯಗಳನ್ನು ಹುರಿದುಂಬಿಸುವ, ಮತ್ತು ವರ್ಣ, ಜಾತಿ ಭೇದಭಾವನೆಗಳನ್ನೆಲ್ಲ ಕಸದ ಬುಟ್ಟಿಗೆ ತೂರಿ ಅವರನ್ನು ಸಮಾನತಾವಾದಿಗಳನ್ನಾಗಿ ಪರಿವರ್ತಿಸುವ ಸಾಹಿತ್ಯ ಸೃಷ್ಟಿ ಮಾಡುವ ಬದಲು, ಗುಂಪುಗಾರಿಕೆಗಲ್ಲದೆ ಮತ್ತೆ ಯಾರಿಗೂ ಬೇಡದ ಮತ್ತು ಯಾರಿಗೂ ಅರ್ಥವಾಗದ ‘ನವ್ಯ’ ನಾಮಕ ವಿಕಾರ ಸೃಷ್ಟಿಗೆ ಮರುಳಾಗಿ ಹೋಗಿದ್ದೀರಿ. ಅಂತಹ ಕೃತಕ ಅನುಕರಣೀಯ ಪಂಥಗಳನ್ನೆಲ್ಲ ನಿಮ್ಮ ಹೃದಯದಿಂದ ಕಿತ್ತೊಗೆದು, ನಿಮ್ಮವರ ಬದುಕನ್ನು ನೇರವಾಗಿ ನೋಡಿ ಅದರಿಂದ ಉದ್ಭವಿಸುವ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಅವರನ್ನು ಮೇಲಕ್ಕೆತ್ತುವ ಧೀರಭಾವಗಳನ್ನೂ ಕ್ರಿಯಾಶೀಲ ಆದರ್ಶಗಳನ್ನೂ ನಿಮ್ಮ ಬರವಣಿಗೆಗಳಲ್ಲಿ ನೀಡಬೇಕಾಗಿರುವುದು ಸದ್ಯದ ನಿಮ್ಮ ಆದ್ಯ ಕರ್ತವ್ಯ. ಪುರೋಹಿತಶಾಹಿಯ ಮೆಚ್ಚುಗೆಗೂ ಹೊಗಳಿಕೆಗೂ ಹಾತೊರೆದು ಬಾಯಿ ಬಿಟ್ಟು ನಿಮ್ಮ ಪೌರುಷ ತೇಜಸ್ಸುಗಳಿಗೆ ಅಪಮಾನ ಮಡಿಕೊಳ್ಳುವುದನ್ನು ಒಡನೆಯೇ ನಿಲ್ಲಿಸಿಬಿಡಿ. (ಮಾನಸ ಗಂಗೋತ್ರಿಯಲ್ಲಿ ಏರ್ಪಡಿಸಿದ್ದ ಲೇಖಕರ ಗೋಷ್ಠಿಯನ್ನು ಉದ್ಘಾಟಿಸುತ್ತಾ ನಾನು ಮಾಡಿದ ಭಾಷಣವನ್ನು ಗಮನವಿಟ್ಟು ಓದಿ ನೋಡಿದರೆ ನನ್ನ ಅಭಿಪ್ರಾಯಗಳು ಸ್ಪಷ್ಟಗೊಳ್ಳುತ್ತವೆ.)
ಲಂಕೇಶ್: ಕನ್ನಡ ಸಾಹಿತಿಗಳು ಬಹುಕಾಲದಿಂದ ಈ ನಾಡ ಹೆಸರಿನ ಬದಲಾವಣೆ, ಕನ್ನಡ ಮಾಧ್ಯಮ ಕುರಿತು ಮಾತನ್ನಾಡುತಿದ್ದರೂ ಕೇವಲ ಹೆಸರಿನ ಬದಲಾವಣೆ ಮಾತ್ರ ಆಗಿ ಮಾಧ್ಯಮದ ಪ್ರಶ್ನೆ ಹಾಗೇ ಉಳಿದಿದೆ. ಇದು ಸಾಹಿತಿಯ ಪ್ರಭಾವದ ದೌರ್ಬಲ್ಯ ತೋರುತ್ತದೆಯೆ?
ಕುವೆಂಪು: ಹಾಗೇನಿಲ್ಲ, ಈಗಾಗಲೆ ತಕ್ಕಷ್ಟು ಕಾರ್ಯ ನಡೆದಿದೆ. ನಡೆಯುತ್ತಲೂ ಇದೆ. ಜನತೆ, ಸರಕಾರ, ಸಾಹಿತ್ಯ ಪರಿಷತ್ತು ಮತ್ತು ವಿಶ್ವವಿದ್ಯಾಲಯಗಳು ಎಲ್ಲವೂ ಕನ್ನಡ ಮಾಧ್ಯಮ ತತ್ವವನೊಪ್ಪಿ ಕ್ರಿಯಾಶೀಲವಾಗಿ ಮುಂದುವರೆಯುತ್ತಿವೆ. ಅದು ಪೂರ್ತಿ ಕೈಗೂಡಲು ತುಸು ಸಮಯ ಬೇಕಾಗಬಹುದು ಅಷ್ಟೆ.
ಲಂಕೇಶ್: ಈ ನಾಡ ತರುಣರಿಗೆ ತಮ್ಮ ಹಿತವಚನವೇನು?
ಕುವೆಂಪು: ನನ್ನ ಸಾಹಿತ್ಯದಲ್ಲಿ- ಕತೆ, ಕಾದಂಬರಿ, ಭಾವಗೀತೆ, ಕಾವ್ಯ, ಮಹಾಕಾವ್ಯ, ಜೀವನ ಚರಿತ್ರೆ, ಭಾಷಣ, ವಿಮರ್ಶೆ ಇತ್ಯಾದಿ- ನಾನು ಹೇಳಬೇಕಾದ್ದೆಲ್ಲವನ್ನೂ ಹೇಳಿದ್ದೇನೆ. ಇಷ್ಟವಿರುವ ತರುಣರು ಅವುಗಳನ್ನು ಮನಸ್ಸಿಟ್ಟು ಓದಲಿ. ವಿಶೇಷವಾಗಿ, ಅದರ ಮುನ್ನುಡಿ ಸಹಿತ ‘ಆತ್ಮಶ್ರೀಗಾಗಿ ನಿರಂಕುಶಮತಿಗಳಾಗಿ’ ಎಂಬ ಪುಸ್ತಕದ ನಾಲ್ಕು ಭಾಷಣಗಳನ್ನಾದರೂ ಓದಲಿ. ಆದರೆ ನಾಲ್ಕನ್ನೂ ಸಮಗ್ರವಾಗಿ ತೆಗೆದುಕೊಳ್ಳಬೇಕು, ಅಷ್ಟೆ.- ಸರ್ವೋದಯ, ಸಮನ್ವಯ ಮತ್ತು ಪೂರ್ಣದೃಷ್ಟಿ ಇವುಗಳೇ ಎಲ್ಲರ ಧ್ಯೇಯಮಂತ್ರಗಳಾಗಲಿ.
ಕೃಪೆ: -‘ಪಾಂಚಾಲಿ’ (ದೀಪಾವಳಿ-ರಾಜ್ಯೋತ್ಸವ ವಿಶೇಷ ಸಂಚಿಕೆ, ಪುಟ: 11-14, 1974)
ಸಂಪಾದಕರು: ಪಿ. ಲಂಕೇಶ್
ಸುದ್ದಿದಿನ.ಕಾಂ|ವಾಟ್ಸಾಪ್|9980346243




