ಅಂತರಂಗ
ಅರಿಮೆಯ ಅರಿವಿರಲಿ-11: ಆತ್ಮವೈಭವ
- ಯೋಗೇಶ್ ಮಾಸ್ಟರ್
ಆತ್ಮರತಿ ಅಥವಾ Narcissistic Personality ಒಮ್ಮೆ ಹೊಕ್ಕಿಕೊಂಡಿತೆಂದರೆ ಅದರಿಂದ ಬಿಡುಗಡೆ ಇಲ್ಲ ಅಂತೇನಿಲ್ಲ. ಇದು ಅನುವಂಶೀಯವಾದ ಸಮಸ್ಯೆಯೇನಲ್ಲ. ಜೊತೆಗೆ ಇದು ಸಾಂಕ್ರಾಮಿಕವೂ ಅಲ್ಲ. ಮನೋರೋಗಗಳಲ್ಲಿ ಕೆಲವು ಸಾಂಕ್ರಾಮಿಕವಾಗುವುದಿವೆ. ಒಬ್ಬರ ವರ್ತನೆ ಮತ್ತು ನಡವಳಿಕೆ ಅಥವಾ ಬಲವಾದ ಪ್ರಭಾವಗಳು ಇನ್ನೊಬ್ಬರಿಗೂ ಅಂತಹ ವರ್ತನೆಯನ್ನು ಪ್ರೇರೇಪಿಸುವಂತಹ ಸೋಂಕು ಇರುತ್ತದೆ. ಒಬ್ಬ ದುರ್ಬಲ ಮನಸ್ಕನು ತನಗಾಗಿರುವ ಭಯ ಅಥವಾ ಇನ್ನಿತರ ನಕಾರಾತ್ಮಕ ಭಾವವನ್ನು ಪದೇಪದೇ ವ್ಯಕ್ತಪಡಿಸುತ್ತಾ ಇನ್ನೊಬ್ಬ ದುರ್ಬಲ ಮನಸ್ಕನಿಗೆ ಅದನ್ನು ಸೋಂಕಿಸಬಹುದು.
ಇದು ಆ ಬಗೆಯದೂ ಅಲ್ಲ. ನಿಜ ಹೇಳಬೇಕೆಂದರೆ ನಾರ್ಸಿಸಂ ಅಥವಾ ಆತ್ಮರತಿಯರಿಮೆ ಎಲ್ಲರಲ್ಲೂ ಇದ್ದೇ ಇರುತ್ತದೆ. ಆದರೆ ಅದು ಎಷ್ಟಿರಬೇಕೋ ಅಷ್ಟೇ ಇದ್ದರೆ ಆರೋಗ್ಯಕರ ಮನಸ್ಥಿತಿ ಎಂದೂ, ಮಿತಿಮೀರಿದರೆ ಅನಾರೋಗ್ಯಕರ ಮನಸ್ಥಿತಿ ಎಂದೂ ತಿಳಿಯಬೇಕು. ಒಬ್ಬ ವ್ಯಕ್ತಿಯ ಸಾಧಾರಣ ಬೆಳವಣಿಗೆಗೆ ಆತ್ಮರತಿಯೆಂಬುದು ಬಹಳ ಸಾಮಾನ್ಯವೂ, ಕೆಲವೊಮ್ಮೆ ಅಗತ್ಯವೂ ಆಗಿರುತ್ತದೆ, ಹಸ್ತಮೈಥುನದಂತೆ.
ಸಿಗ್ಮಂಡ್ ಫ್ರಾಯ್ಡ್ ಆತ್ಮರತಿಗೆ ಕೊಡುವ ಒಂದು ಸಾಧಾರಣ ಉದಾಹರಣೆ ಏನೆಂದರೆ, “ಗಂಡ ಹೆಂಡತಿ ಮಗುವನ್ನು ಹೆರುವುದು,” ತಮ್ಮ ತದ್ರೂಪುಗಳನ್ನು ರೂಪಿಸುವುದು ಅಥವಾ ವಂಶ ಮುಂದುವರಿಸುವುದೂ ಕೂಡಾ ಆತ್ಮರತಿಯೇ. ಇರಬಹುದು. ಅರಿವಿಗೆಟುಕದ ಅನೇಕ ಅರಿಮೆಗಳು ನಮ್ಮಲ್ಲಿ ಅಂತರ್ಗತವಾಗಿರುತ್ತವೆ. ಹಾಗಿರುವಾಗ, ಅಯ್ಯೋ ನನಗೆ ಇಂತದ್ದೊಂದು ಅರಿಮೆ ಇದೆ, ಕಾಂಪ್ಲೆಕ್ಸ್ ಕಾಡುತ್ತಿದೆ ಎಂದು ರೋಗಗ್ರಸ್ತ ಮನೋಭಾವವನ್ನು ಹೊಂದುವ ಬದಲು, ‘ಇದಕ್ಕೆ ಈ ಹೆಸರಿನಿಂದ ಕರೆಯುತ್ತಾರೆ’ ಎಂಬು ತಿಳುವಳಿಕೆಯನ್ನು ಹೊಂದುವುದು ಮತ್ತು ಮಿತಿ ಮೀರಲು ಹಾತೊರೆವ ಅರಿಮೆಯನ್ನು ಅರಿವಿನಿಂದ ಅಂಕೆಯಲ್ಲಿಡುವುದು ಜಾಣನಾದವನ ಲಕ್ಷಣ.
ನಾನು ಸರ್ವಶಕ್ತ ಸರ್ವಾಂತರ್ಯಾಮಿ
ಮನುಷ್ಯನಿಗೆ ಮಗುವಾಗಿರುವಾಗಲೇ ತನ್ನ ದೃಷ್ಟಿಯ ಮಿತಿಯಲ್ಲಿರುವ ಇಲ್ಲದಿರುವ ಬೇಕಿರುವ ಬೇಡದಿರುವ ಎಲ್ಲದರ ಮೇಲೆ ತನ್ನ ಒಡೆತನ ಅಥವಾ ಯಜಮಾನಿಕೆ ಅಥವಾ ಅಧಿಕಾರ ಇರಬೇಕೆಂದೂ ಆಸೆ ಇರುತ್ತದೆ.ತಾನೊಬ್ಬ ಸರ್ವಶಕ್ತ ಮತ್ತು ಸರ್ವಾಂತರ್ಯಾಮಿಯಾಗಿರಬೇಕೆಂಬ ಆತ್ಮವೈಭವದ ಪರಿಕಲ್ಪನೆ ಇರುತ್ತದೆ. ಮಗುವಿಗೆ ಆಲೋಚನೆಗಳು ಮೂಡತೊಡಗುವ ವಯಸ್ಸಿನಲ್ಲಿಯೇ, ತನ್ನ ಸುತ್ತಲ ವಿಷಯವಸ್ತುಗಳನ್ನು ಗುರುತಿಸುವಷ್ಟಾಗುತ್ತಿದ್ದಂತೆ, ಅದರಲ್ಲಿಯೂ ತನಗೆ ಯಾವುದರಿಂದ ಆನಂದ ಮತ್ತು ಸುಖ ಸಿಗುತ್ತದೆ ಎಂಬ ಅರಿವಾಗುತ್ತಿದ್ದಂತೆಯೇ ಮನಸ್ಸಿನಲ್ಲಿ ಕನಸುಗಳು ಗರಿಗೆದರತೊಡಗುತ್ತದೆ.
ಅವರ ಏಕಾಂತಗಳಲ್ಲಿ, ಒಬ್ಬರೇ ಆಡಿಕೊಳ್ಳುವ, ತಮ್ಮೊಂದಿಗೆ ತಾವೇ ಇರುವಂತಹ ಎಲ್ಲಾ ಅವಕಾಶಗಳಲ್ಲಿ ಅವರು ಕನವರಿಸುವುದು ತಮ್ಮ ಆತ್ಮವೈಭವವನ್ನೇ. ಇದನ್ನು ಮನಶಾಸ್ತ್ರದಲ್ಲಿ ಮೆಗಲೋಮೇನಿಯಾಕ್ ಆಮ್ನಿಪೇಟೆನ್ಸ್ ಆಲೋಚನೆಗಳು ಎನ್ನುತ್ತಾರೆ. ಸಾಲದಕ್ಕೆ ಕೆಲವು ಪೋಷಕರು, ಕೆಲವು ಶಿಕ್ಷಕರು, ಮಗುವನ್ನು ಪ್ರೀತಿಸುವವರು ಈ ಆಲೋಚನೆಗಳಿಗೆ, ಅವರು ಕನವರಿಸುವ ಕನಸುಗಳಿಗೆ ಕಸುವು ನೀಡುವಂತೆ ಪ್ರೇರಣೆಗಳನ್ನು ನೀಡುತ್ತಾರೆ.
ಪ್ರೋತ್ಸಾಹಿಸುತ್ತಾರೆ. ಕೆಲವು ಪೋಷಕರಂತೂ ತಾವೆಂದಿಗೂ ಸೇರಲಾಗದ ಗುರಿಯ ದಾರಿಯನ್ನು ಅವರ ಕಡೆಗೆ ತಿರುಗಿಸಿಬಿಡುತ್ತಾರೆ. ಮಕ್ಕಳಲ್ಲಿ ಅರಿಮೆಗಳನ್ನು ಬಲಗೊಳಿಸುವುದು ಸಾಮಾನ್ಯವಾಗಿ ಕುಟುಂಬವೇ. ಮಕ್ಕಳಲ್ಲಿರುವ ಮೌಲ್ಯವನ್ನು ಅಗತ್ಯಕ್ಕಿಂತ ಹೆಚ್ಚಾಗಿ ಅತ್ಯುತ್ಪ್ರೇಕ್ಷೆಯಿಂದ ವರ್ಣಿಸುವುದು. ಹೊಗಳುವುದು. ನಮ್ಮ ಮಗು ಬಿಟ್ಟಾರೆ ಈ ಜಗತ್ತಿನಲ್ಲಿ ಇಂತಹ ಮಕ್ಕಳೇ ಇಲ್ಲ ಎನ್ನುವಂತೆ ಕೊಂಡಾಡುವುದು; ಇವೆಲ್ಲಾ ಸಹಜವಾಗಿಯೇ ಮಕ್ಕಳಲ್ಲಿ ಇರುವ ಆತ್ಮವೈಭವವನ್ನು ಆತ್ಮರತಿಯ ಸಮಸ್ಯೆಯನ್ನಾಗಿ ಪರಿವರ್ತಿಸುತ್ತದೆ. ಒಂದು ವೇಳೆ ಪೋಷಕರು ಅಥವಾ ಮನೆಯವರು ಅಥವಾ ಸಾಮಾಜಿಕ ಪರಿಸರದಲ್ಲಿರುವವರು ಮಗುವಿಗೆ ಉಬ್ಬಿಸುವ ಬದಲು ಕುಗ್ಗಿಸಿದರೆ, ಮಕ್ಕಳು ಕೀಳರಿಮೆಯಲ್ಲಿ ಬಳಲುತ್ತಾರೆ.
ವಿರೂಪದರಿಮೆ
ಆತ್ಮರತಿಗೆ ವಿರುದ್ಧವಾದಂತಹ ಇನ್ನೊಂದು ಸಮಸ್ಯೆ ಇದೆ, ಅದು ವಿರೂಪದರಿಮೆಯ ಸಮಸ್ಯೆ Body dysmorphic disorder (BDD. ಇವರ ಸಮಸ್ಯೆ ಏನೆಂದರೆ, ತಮ್ಮ ಮುಖದಲ್ಲಿ, ದೇಹದಲ್ಲಿ, ನಡೆಯಲ್ಲಿ, ನಿಲುವಲ್ಲಿ, ಭಂಗಿಯಲ್ಲಿ; ಎಲ್ಲದರಲ್ಲೂ ಏನೋ ಒಂದು ಸಮಸ್ಯೆ ಇದೆ ಎಂದು ಕೊರಗುತ್ತಿರುತ್ತಾರೆ. ತಾನು ಚೆನ್ನಾಗಿಲ್ಲ. ಇತರರು ಇದ್ದಂತೆ ತಾನು ಸುರೂಪವಾಗಿಲ್ಲ. ನನ್ನ ಮೂಗು ವಕ್ರ, ಕೆನ್ನೆ ಚಪ್ಪೆ, ಮೂತಿ ಉದ್ದ, ಹಲ್ಲು ವಕ್ರ, ಮುಖದಲ್ಲಿ ಲಕ್ಷಣವಿಲ್ಲ; ಹೀಗೆ, ಒಂದಲ್ಲಾ ಒಂದು ವಿರೂಪವನ್ನು ತಮ್ಮಲ್ಲಿ ಗುರುತಿಸಿಕೊಂಡು ಕೀಳರಿಮೆಯಲ್ಲಿ ಬಳಲುತ್ತಿರುತ್ತಾರೆ. ತಾವು ಕಪ್ಪು ಎಂಬ ಅರಿಮೆ, ತಲೆಯಲ್ಲಿ ಕೂದಲಿಲ್ಲ ಎಂಬ ಕೊರಗು; ತಾನು ಸಣ್ಣಗಿದ್ದೇನೆ ಅಥವಾ ದಪ್ಪಗಿದ್ದೇನೆ; ಯಾವುದಾದರೂ ಅವರ ತಲೆಯಲ್ಲಿ ಕೂತಿರುತ್ತದೆ. ಹಲ್ಲು ಉಬ್ಬಿದೆ ಎಂದು ಮನಸೋಯಿಚ್ಚೆ ನಗಲಾರರು. ಹಲ್ಲು ಕಂಡವರು ಆಡಿಕೊಳ್ಳುತ್ತಾರೆ, ಅಪಹಾಸ್ಯ ಮಾಡುತ್ತಾರೆ ಎಂಬ ಹಿಂಜರಿಕೆ ಅವರಿಗೆ.
ಸಾಲದಕ್ಕೆ ನಮ್ಮ ಸಮಾಜವೂ ಸೌಂದರ್ಯವೆಂದರೆ ಹೀಗೆ ಎಂಬ ಮಾನದಂಡಗಳನ್ನು ಬೇರೆ ಇಟ್ಟಿದೆಯಲ್ಲಾ. ಹುಡುಗಿ ಎಂದರೆ ತೆಳ್ಳಗೆ, ಬೆಳ್ಳಗೆ ಇರಬೇಕು. “ಕಣ್ಣೆರಡು ಕಮಲಗಳಂತೆ, ಮುಂಗುರುಳು ದುಂಬಿಗಳಂತೆ, ನಾಸಿಕವು ಸಂಪಿಗೆಯಂತೆ, ನೀ ನಗಲು ಹೂಬಿರಿದಂತೆ,” ಎಂದು ಸೌಂದರ್ಯಕ್ಕೊಂದು ಮಾನದಂಡವಿಟ್ಟು, ಆ ಸುರೂಪದ ಮಾನದಂಡದ ವ್ಯಾಪ್ತಿಯಲ್ಲಿ ಬರದೇ ಇರುವವರು ತಮ್ಮನ್ನು ಕುರೂಪವೆಂದೋ, ವಿರೂಪವೆಂದೋ ಅಂದುಕೊಳ್ಳಬೇಕು ತಾನೆ? ಕತೆ, ಕಾವ್ಯ ಮತ್ತು ಕಾದಂಬರಿಗಳಂತಹ ಸಾಹಿತ್ಯ, ಸಂಗೀತ, ಸಿನಿಮಾಗಳು ಸಾಕಷ್ಟು ಪ್ರಮಾಣದಲ್ಲಿ ಅರಿಮೆಗಳನ್ನು ಗಟ್ಟಿಗೊಳಿಸುವ ಕಾಣ್ಕೆಗಳನ್ನು ನೀಡುತ್ತವೆ.
ಸುಮ್ಮನೆ ಆಗಲೋ ಈಗಲೋ ಗಮನಿಸಿ, ಬೆಳ್ಳಗಿದ್ದಾನೆಂದೋ, ದಷ್ಟಪುಷ್ಟವಾಗಿದ್ದಾನೆಂದೋ, ಎತ್ತರಕ್ಕಿದ್ದಾನೆಂದೋ, ಅಥವಾ ಇವೆಲ್ಲವೂ ಇದೆಯೆಂದೋ ಆತನಿಗೆ “ನೀನು ಹೀರೋ, ಒಳ್ಳೆ ಹೀರೋ ಇದ್ದಂಗಿದ್ದೀಯ. ಯಾಕೆ ಸಿನಿಮಾಗೆ ಪ್ರಯತ್ನ ಮಾಡಬಾರದು” ಎಂದೇ ಹೇಳುತ್ತಾರೆ.
ಅವರೇನೂ ಸುಮ್ಮನೆ ಹೇಳುತ್ತಿಲ್ಲ. ಅವರಲ್ಲಿ ಒಂದು ಸ್ವಂತ ಆಲೋಚನೆಯೊಂದು ಹುಟ್ಟಿ ಅದಕ್ಕೆ ಸರಿಯಾಗಿ ಅವರು ಮಾತಾಡುತ್ತಿಲ್ಲ. ಸಾಮಾನ್ಯವಾಗಿ ಸಮಾಜದಲ್ಲಿ ಚಾಲ್ತಿಯಲ್ಲಿರುವ ಅಭಿಪ್ರಾಯವನ್ನು ತಮ್ಮದಾಗಿಸಿಕೊಂಡು ಅಭಿವ್ಯಕ್ತಪಡಿಸುತ್ತಿರುತ್ತಾರೆ.
ಅರಿಮೆಗಳ ಬಂಡವಾಳ ಮತ್ತು ವ್ಯಾಪಾರ
ಈ ಅರಿಮೆಗಳು ಎಷ್ಟೋ ಜನಕ್ಕೆ ಬಂಡವಾಳ. ಫೇರ್ ಆಗಿ, ಲವ್ಲೀ ಆಗಿ ಕಾಣಿರಿ ಎಂದು ಫೇರ್ನೆಸ್ ಕ್ರೀಂಗೆ ಬಂಡವಾಳ ಹಾಕಿದವರಿಗೆ ಲಾಭವಾಗುತ್ತಿರುವುದು ಯಾವ ಅರಿಮೆಯಿಂದ? ನಾವು ಧಾರ್ಮಿಕ ಮೌಢ್ಯಗಳನ್ನು ಧಿಕ್ಕರಿಸುತ್ತಾ ಬಂಡವಾಳದಾರರು ಪೋಷಿಸುವ ಮೌಢ್ಯಗಳನ್ನು ಗಮನಿಸುವಲ್ಲಿ ಹಿಂದುಳಿದುಬಿಡುತ್ತೇವೆ. ಹದಿನೈದು ದಿನಗಳ ಮುಖದ ಕಾಂತಿ ಇಂತಿರುವುದು ಅಂತಾಗಿಬಿಡುತ್ತದೆ ಎಂಬ ಬಣ್ಣದ ಮಾಪನದ ಪಟ್ಟಿಯನ್ನು ಹೊಂದಿರುವ ಮುಖಕಾಂತಿಯ ಕ್ರೀಮನ್ನು ವರ್ಷಾನು ವರ್ಷಗಟ್ಟಲೆ ಬಳಸುತ್ತಲೇ ಇದ್ದರೂ ‘ಈ ಕ್ರೀಮಿನವರು ಸುಳ್ಳುಗಾರ. ಈ ಕ್ರಿಮಿಂದ ನನಗೆ ಯಾವ ಮುಖಕಾಂತಿಯೂ ಬಂದಿಲ್ಲ’ ಎಂದು ಧಿಕ್ಕರಿಸದೇ ಇರುವಷ್ಟು ಕ್ರೀಮಿನ ವ್ಯಸನವು ಅಂಟಿರುತ್ತದೆ.
ಬಂಡವಾಳದಾರನಿಗೆ ನಾವು ವ್ಯಸನಕ್ಕಂಟುವುದೇ ಬೇಕಾಗಿರುವುದು. ಇಂದು ಸಮಸ್ಯೆ ಇದೆ ಎಂದು ಕೊಂಡು ನಾಳೆ ವಾಸಿಯಾದ ಮೇಲೆ ಬೇಡದೇ ಸುಮ್ಮನಾಗಿಬಿಡುವಂತಹ ಯಾವುದೋ ರೋಗದ ಔಷಧಿಯಲ್ಲ ಇದು. ಅರಿಮೆಯ ವ್ಯಸನ ಹೋಗದು, ಪರಿಹಾರ ಲಭಿಸದು ಎಂಬ ನಂಬಿಕೆ ಅವರದು.
ಬಂಡವಾಳದಾರರು ಅದೆಷ್ಟು ಅರಿಮೆಯನ್ನು ಗಟ್ಟಿಗೊಳಿಸುತ್ತಾರೆಂದರೆ, ನೀವು ಹಾಡುವ ಸಾಮರ್ಥ್ಯಕ್ಕೂ, ಅದಕ್ಕೆ ಬೇಕಾದ ಆತ್ಮವಿಶ್ವಾಸಕ್ಕೂ ನಿಮ್ಮ ಕಪ್ಪುತ್ವಚೆಯನ್ನು ತಗುಲಿಹಾಕುತ್ತಾರೆ. ಗೌರವವರ್ಣಕ್ಕೆ ನೀವು ತಿರುಗಿದ ಮೇಲೆ ಆತ್ಮವಿಶ್ವಾಸದಿಂದ ಹಾಡುತ್ತೀರಿ ಎನ್ನುತ್ತಾರೆ. ಅದನ್ನು ಒಪ್ಪಿ ಆ ವಸ್ತುಗಳನ್ನು ಕೊಳ್ಳುತ್ತಾರೆ. ಸಣ್ಣಗಿರುವವರಿಗೆ ದಪ್ಪಗಾಗಲು, ದಪ್ಪಗಿರುವವರಿಗೆ ಸಣ್ಣಗಾಗಲು, ಕುಳ್ಳಗಿರುವವರಿಗೆ ಉದ್ದವಾಗಲು, ತಲೆಯಲ್ಲಿ ಕಡಿಮೆ ಕೂದಲಿರುವವರಿಗೆ ಉದ್ದ ಕೂದಲು ಬರಲು; ಅಷ್ಟೇಕೆ ಮೊಲೆಗಳ ಗಾತ್ರವನ್ನು ಹೆಚ್ಚಿಸಲು, ನಿಮ್ಮ ಶಿಶ್ನವು ಚಿಕ್ಕದಾಗಿದ್ದರೆ ಅದನ್ನು ಉದ್ದ ಮಾಡಲು. ನಿಮ್ಮ ಸಂಭೋಗದ ಸಮಯವನ್ನು ರಾತ್ರಿಯಿಡೀ ಹಿಗ್ಗಿಸಲು; ಹೀಗೆ ಅರಿಮೆಗಳು ವ್ಯಾಪಾರಕ್ಕೆ ಬಂಡವಾಳಗಳೂ ಕೂಡಾ.
ಮೊಲೆಗಳು ಚಿಕ್ಕದಿರಲಿ, ದೊಡ್ಡದಿರಲಿ, ಅವುಗಳು ಆರೋಗ್ಯವಾಗಿದ್ದರೆ ಸಾಲದೇ? ಶಿಶ್ನವು ಉದ್ದಕ್ಕಿರಲಿ, ಸಣ್ಣಕ್ಕಿರಲಿ; ಆರೋಗ್ಯವಾಗಿ ಅದು ಮಾಡುವ ಕೆಲಸ ಮಾಡಿದರಾಗದೇ? ಹೋಗಲಿ ಅದು ಅತ್ಯಂತ ಆಕರ್ಷಕವಾಗಿದ್ದರೂ, ಇಲ್ಲದಿದ್ದರೂ ಏನು? ಅದೇನು ಮುಖದಲ್ಲಿ ಮೂಗಿರುವ ಜಾಗದಲ್ಲಿದೆಯೇ ವಡವೆಯೊಂದರಿಂದ ಅಲಂಕರಿಸಿಕೊಂಡು ಮೆರವಣಿಗೆ ಹೋಗಲು? ಆದರೆ ಅರಿಮೆಯ ಪ್ರಭಾವವೇ ಅಂತಹದ್ದು. ಆತ್ಮರತಿಯೇ ಮೊದಲಾದ ಅರಿಮೆ ಎಂಬುದು ಮನುಷ್ಯನ ಪ್ರದರ್ಶನದ ಆಯಾಮಗಳಲ್ಲಿ ಮಾತ್ರವಲ್ಲ ಗುಪ್ತನೆಲೆಗಳಲ್ಲಿ, ಒಳಗಿನ ನೆರಳುಗಳಲ್ಲೂ ಒಳಗೊಳಗೇ ಕಾಡುತ್ತಿರುತ್ತವೆ.
ಶಿಶ್ನದ ಗಾತ್ರವೇ ಮೊದಲಾದ ಲೈಂಗಿಕತೆಯ ಕೀಳರಿಮೆಗಳಿಂದ ಬಹಳಲುವ ಜನರ ಅದೆಷ್ಟು ಸಾಮರ್ಥ್ಯ ಮತ್ತು ಪ್ರತಿಭೆಗಳು ಹಾಗೆಯೇ ಸೊರಗಿ ಹೋಗಿವೆಯೋ ಕಂಡವರಾರು? ಲೆಕ್ಕವಿಟ್ಟವರಾರು? ಮೊದಲು ಇವನ್ನು ರೂಪಿಸಿದವರು ಯಾರು? ಯಾರಾದರಾಗಲಿ, ಹೇಗಾದರಾಗಲಿ; ಇಂತಹ ಸೋಂಕುಗಳಿಂದ ನಾವು ನಮ್ಮನ್ನೂ ರಕ್ಷಿಸಿಕೊಳ್ಳಬೇಕು, ಸಮಾಜವನ್ನೂ ರಕ್ಷಿಸಬೇಕು. ಖಂಡಿತವಾಗಿ ಅದು ಪ್ರಾರಂಭವಾಗಬೇಕಾಗಿರುವುದು ‘ನನ್ನಿಂದಲೇ’.
ಅಭಿಪ್ರಾಯಗಳೂ ಕೂಡಾ ಸೋಂಕುಗಳಂತೆ ವರ್ತಿಸುತ್ತಾ ಅರಿಮೆಗಳಿಗೆ ಕಾರಣವಾಗುತ್ತದೆ.
ವಿರೂಪದ ಅರಿಮೆಯು ತನ್ನ ಮೌಲ್ಯವನ್ನು ತಾನೇ ಗ್ರಹಿಸುವುದಕ್ಕೆ ಬಿಡುವುದಿಲ್ಲ. ತನಗಿರುವ ಸಾಮರ್ಥ್ಯದ ಸಾಧ್ಯತೆಗಳನ್ನು ಹುಡುಕಿಕೊಳ್ಳಲು ಬಿಡುವುದಿಲ್ಲ. ನನ್ನಂತವರಿಗೆ ಯಾರು ಹೆಣ್ಣು ಕೊಡ್ತಾರೆ? ನನ್ನ ಮುಖಕ್ಕೆ ಯಾರು ಕೆಲಸ ಕೊಡ್ತಾರೆ? ನನ್ನ ಯಾರೂ ಮೂಸುವವರಿಲ್ಲ? ಇವುಗಳ ಅವರ ಸಾಧಾರಣ ಮಾತುಗಳು.
ಮಹಾತ್ಮನ ಆತ್ಮ
ನಾನು ಅಂದರೆ ಯಾರು? ನಾನು ಮನಸ್ಸು ಮಾಡಿದರೆ ಏನು ಬೇಕಾದರೂ ಮಾಡ್ತೇನೆ. ನನ್ನ ಮಾತೇ ನಡೆಯಬೇಕು ಎಂಬ ಅಹಂಕಾರದ ಆತ್ಮರತಿಯಂತೆ, ಇನ್ನೊಂದು ವಿನಯಶೀಲ, ಮಾನವೀಯ ಆತ್ಮರತಿಯೂ ಕೂಡಾ ಅಸ್ತಿತ್ವದಲ್ಲಿದೆ. ನಾನಲ್ಲದೇ ಇನ್ಯಾರು ನೋಡಬೇಕು? ನಾವೇ ಕಾಪಾಡಬೇಕು. ಅವರು ಏನೇ ಹೇಳಲಿ, ನಾನು ಸಮಾಧಾನವಾಗಿದ್ದು ಸನ್ನಿವೇಶವನ್ನು ನಿಯಂತ್ರಿಸಬೇಕು. ಅವನಿಗೆ ಗೊತ್ತಾಗಲ್ಲ ಅಂದರೆ ನನಗೆ ಗೊತ್ತಾಗಲ್ವಾ? ಇದೂ ಕೂಡಾ ಆತ್ಮರತಿಯೇ.
ಆದರೆ ಆಗ್ರಹಪೂರ್ವಕವಾಗಿರುವುದಿಲ್ಲ. ಆವೇಶಭರಿತವಾಗಿರುವುದಿಲ್ಲ. ಈ ಬಗೆಯ ಮೃದುವಾದ ಮತ್ತು ವಿನಯಶೀಲವಾದ ಆತ್ಮರತಿಯ ಮದನರು ಮಹಾತ್ಮರಾಗುತ್ತಾರೆ. ಜನರೂ ಮತ್ತು ಸಮಾಜವೂ ಅವರು ಪ್ರದರ್ಶಿಸುತ್ತಿರುವ ಪ್ರೇಮ, ಪ್ರೀತಿ, ಕಳಕಳಿ ಮತ್ತು ಸೇವೆಗಳನ್ನು ನೋಡುತ್ತಾ, ಅದರಲ್ಲೂ ತಾವು ಹಿಂಜರಿಯುವ ಕ್ಷೇತ್ರಗಳಲ್ಲಿ ಅಸಹ್ಯ ಪಡದೇ, ಧೈರ್ಯವಾಗಿ ಸೇವೆಗಳನ್ನು ಮಾಡುವ ಈ ಮೃದು ಆತ್ಮರತಿಯವರು ಸ್ತುತಿಗೆ ಅರ್ಹವಾಗುತ್ತಾರೆ.
ಪರೋಪಕಾರಾರ್ಥೇಮಿದಂ ಶರೀರಂ ಎಂದು ನಸುನಗುತ್ತಾ ಅವರಿವರಿಗೆ ಸೇವೆ ಸಲ್ಲಿಸುತ್ತಾ, ಬಡವರನ್ನು ಹುಡುಕಿ, ಅನಾಥಾಲಯಗಳನ್ನು ಹೊಕ್ಕು ತಮ್ಮ ಆ ಒಂದು ದಿನದ ಸೇವೆಯನ್ನು ಶಾಶ್ವತ ಫೋಟೋ ಫ್ರೇಮಿನಲ್ಲಿ ಬಂಧಿಸಿ, ಫೇಸ್ಬುಕ್ ವಾಟ್ಸಪ್ಪುಗಳಲ್ಲಿ ಪ್ರಚಾರಪಡಿಸುವ ಆತ್ಮರತಿಯೂ ಕೂಡಾ ನಾರ್ಸಿಸಮ್ ಅರಿಮೆಯ ಭಾಗವೇ.
ಈ ವಿವಿಧ ಬಗೆಯ ಆತ್ಮರತಿಗಳನ್ನು, ಅಹಂಕಾರಗಳನ್ನು, ಆತ್ಮಕೇಂದ್ರಿತ ಆಲೋಚನೆಗಳನ್ನು ತಿಳಿದುಕೊಂಡರೆ ಒಬ್ಬ ಯಾವುದರಲ್ಲೇ ಬಂಧಿತನಾಗಿದ್ದರೆ ಅದರಿಂದ ಮುಕ್ತನಾಗಬಹುದು. ತಿಳಿದುಕೊಳ್ಳೋಣ ಮುಂದೆ.
(ಮುಂದುವರಿಯುವುದು)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು
~ ಯೋಗೇಶ್ ಮಾಸ್ಟರ್
ಮೆಟ್ಟಿಲುಗಳ ಮೇಲೆ ನಿಂತು ದಿಟ್ಟಿಸುತ್ತಿರುವವನ ನೋಡುಗರು ಏನೆಂದು ತಿಳಿದಾರು? ಹತ್ತುತ್ತಿರುವನೆಂದೋ, ಇಳಿಯುತ್ತಿರುವನೆಂದೋ? ಯಾರೇನಾದರೂ ಅಂದುಕೊಳ್ಳಲಿ ಹೊರಗೆ ಹತ್ತುತ್ತಿರುವವನು ಇಳಿಯುತ್ತಿರಬಹುದು. ಇಳಿಯುತ್ತಿರುವವನು ಹತ್ತುತ್ತಿರಬಹುದು.
ಈಗ ಯಾರೂ ನೋಡುತ್ತಿಲ್ಲ. ನಾನು ಹತ್ತುತ್ತಿರುವೆನೋ ಇಳಿಯುತ್ತಿರುವೆನೋ ಯಾರೂ ನೋಡುತ್ತಿಲ್ಲ. ಯಾರೊಬ್ಬರೂ ಇಲ್ಲದಿರುವಾಗಲೂ ನಾನು ನನಗೆ ಪ್ರಾಮಾಣಿಕವಾಗಿ ಇರದಿದ್ದರೆ? ‘ಆತ್ಮಾರಾಮ್, ಈಗೇನು ನೀನು ಏರುತ್ತೀಯೋ, ಇಳಿಯುತ್ತೀಯೋ?’ ಬೇರೊಬ್ಬರು ಕೇಳುವ ಪ್ರಶ್ನೆಗಳಿಗೆ ಉತ್ತರಿಸಿಬಿಡಬಹುದು. ನಾನೇ ಹಾಕಿಕೊಳ್ಳುವ ಪ್ರಶ್ನೆಗೆ ನಾನೇ ಉತ್ತರಿಸುವ ಧೈರ್ಯ ಅಷ್ಟು ಸುಲಭದಲ್ಲಿ ಬರುವುದಿಲ್ಲ.
ನೂರಾರು ಆಪ್ತ ಸಮಾಲೋಚನೆಗಳಲ್ಲಿ ಸಾವಿರಾರು ಪ್ರೊಜೆಕ್ಟಿವ್ ಪ್ರಶ್ನೆಗಳನ್ನು ಕೇಳಿದ್ದೇನೆ. ನನಗೆ ನಾನೇ ಪ್ರೊಜೆಕ್ಟ್ ಮಾಡುವ ಪ್ರಶ್ನೆಯನ್ನು ನಾನು ಹಾಕಿಕೊಳ್ಳಲು ಇದುವರೆಗೂ ಆಗಿಲ್ಲ.
ಇವತ್ತು ಹಾಕಿಕೊಂಡೆ. ಅದ್ಯಾಕೋ ಮೆಟ್ಟಿಲುಗಳು ನನ್ನ ಪ್ರಶ್ನಿಸಿದವು. ಹೇ ಆತ್ಮಾರಾಮ್, ಈಗೇನು? ನೀನು ಏರುತ್ತೀಯೋ? ಇಳಿಯುತ್ತೀಯೋ?’ ಏರಿದ್ದೇನೆಂದುಕೊAಡು ಇಳಿದಿರುವ ನಾನು ಹೇಗೆ ಉತ್ತರಿಸಲಿ? ಮೆಲ್ಲನೆ ಕುಳಿತುಬಿಟ್ಟೆ.
ಹೌದು, ಈ ಮೆಟ್ಟಿಲುಗಳು ಬರೀ ಏರಲಲ್ಲ, ಇಳಿಯಲೂ ಅಲ್ಲ. ಕುಳಿತುಕೊಳ್ಳಲೂ ಹೌದು.
ಒಳಗಿರುವ ಮಾತುಗಳು ಹೊರಗೆಡವಲೂ ಅಲ್ಲ, ಒಳಗೆ ನುಂಗಿಕೊಳ್ಳಲೂ ಅಲ್ಲ. ಆದರೆ ಅವು ಬಹುಕಾಲದಿಂದ ಕಾಯುತ್ತಲೇ ಇವೆ. ಕಾದು ಕಾದು ಬಿಸಿಯೇರಿದೆ. ಈಗ ಹೊರಗೆಡಬೇಕು ಅಥವಾ ನುಂಗಬೇಕು. ಹಾಗೆಯೇ ತಣ್ಣಗಾಗುವ ಬಗೆಯೇನಾದರೂ ಇದೆಯಾ?
ನೋಡುಗರ ಕಣ್ಣಲ್ಲಿ ನಾನೊಂದು ಪರಮ ಶಾಂತಿ. ಆದರೆ ಅದು ನನ್ನೊಳಗೆ ಬರೀ ಭ್ರಾಂತಿ. ಒಳಗೆ ಪದೇ ಪದೇ ಪ್ರತಿಧ್ವನಿಸುತ್ತಿರುವ ಸದ್ದುಗಳ ಸೊಲ್ಲಡಗಿಸಿ ಸುಮ್ಮನಿರಿಸಲು ಹೇಗಾದೀತು? ಆಪ್ತ ಸಮಾಲೋಚನೆಗೆ ಬಂದವರು ಇದನ್ನು ಹೇಳಿದರೆ, “ಪದೇ ಪದೇ ಆಲೋಚನೆಗಳು ಬರುತ್ತಿದ್ದರೆ ಅದನ್ನು ಚಿಂತಾಚಕ್ರ ಅಥವಾ ಡಿumiಟಿಚಿಣioಟಿ ಎನ್ನುತ್ತೇವೆ. ಅದರಿಂದ ನೀವು ಹೊರಗೆ ಬರಬೇಕು” ಎಂದು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟು ಕಳುಹಿಸುತ್ತಿದ್ದೆ. ಆದರೆ ನನಗೆ ನಾನು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟುಕೊಳ್ಳಲು ಆಗದು.
ಸದ್ದಿಲ್ಲದ ಹಗಲಲ್ಲಿ, ಸದ್ದಡಗಿದಾಗ ರಾತ್ರಿಯಲ್ಲಿ ಹಳೆಯ ಮಾತುಕತೆಗಳು, ತಪುö್ಪಗಳು, ಬೇಸರಗಳು, ಪಶ್ಚಾತ್ತಾಪಗಳು ಮತ್ತು ವೈಫಲ್ಯಗಳು ಹಿಂದೆ ಹಿಂದೆಯೇ ಕಡಲ ತಡಿಗೆ ಬಂದಪ್ಪಳಿಸುವ ತಡೆಯಲಾಗದ ಅಲೆಗಳಾಗಿರುತ್ತವೆ. ಬೆಳಗಾದಾಗ ಗತ್ಯಂತರವಿಲ್ಲದೇ ಮಾಡುವ ಗದ್ದಲದಲ್ಲಿ ರಾತ್ರಿಗಾಗಿ ಕಾಯುತ್ತಾ ಒಳಗವಿತಿರುವ ಹೆಗ್ಗಣಗಳಂತೆ, ಜಿರಳೆಗಳಂತೆ ಅದೆಲ್ಲೋ ಬಿದ್ದಿರುತ್ತವೆ. ರಾತ್ರಿಯಾದರೆ ಸಾಕು ಮೆದುಳೆಂಬ ಒಡಕಲು ಪ್ರೊಜೆಕ್ಟರ್ ತನ್ನ ಮಾಸಲು ಸಿನಿಮಾವನ್ನು ತಂತಾನೆ ತೋರಿಸಲಾರಂಭಿಸುತ್ತವೆ.
ಅವರಿಗೆ ಇವರಿಗೆ ನಾನು ಹೇಳುವುದು ಅದೆಷ್ಟು ಕಪಟತನದ್ದು!
‘ಇದು trap of overthinking. ನೀವು ಹೊರಗೆ ಬರಬೇಕು.’
ನನಗೇ ಅವನ್ನು ನೋಡಿಕೊಳ್ಳಲು ಆಗಿಲ್ಲ. ನೋಡಿಕೊಳ್ಳಲು ಆಗಿಲ್ಲ ಎನ್ನುವುದಕ್ಕಿಂತ ನೋಡಿಕೊಳ್ಳಲು ಭಯ. ನನಗೆ ನನ್ನ ಮೇಲೆಯೇ ಜಿಗುಪ್ಸೆ ಬಂದುಬಿಟ್ಟೀತೆAಬ ಭಯ. ಆದರೆ ನೋಡಿಕೊಂಡರೆ ಬಾಧೆ ನಿವಾರಣೆಯಾಗಬಹುದು. ಚಿಂತಾಚಕ್ರ ತಿರುಗುತ್ತಿದ್ದಂತೆ, ಬಹುಕಾಲ ತಿರುಗುತ್ತಲೇ ಇದ್ದಂತೆ ಸವೆಯುವುದು. ಆ ಸವಕಳಿ ಚಿಂತಾಚಕ್ರವನ್ನು ಇಲ್ಲವಾಗಿಸದು. ಆದರೆ ಅದು ಸುತ್ತಲು ಮಧ್ಯದ ಕೀಲಾಗಿರುವ ನನ್ನ ಬಳಲಿಸುವುದು.
ಆ ಬಳಲಿಕೆಯೇ ನನ್ನ ವಯಸ್ಸಿಗಿಂತ ಹೆಚ್ಚು ಆಯಸ್ಸಾದಂತೆ ಕಾಣಿಸುವುದು. ಇರುವುದಕ್ಕಿಂತ ದೇಹ ಭಾರವಾಗಿರುವುದು.
ಹೌದಲ್ಲಾ, ಏರುತ್ತಲೋ, ಇಳಿಯುತ್ತಲೋ ಹೆಣಗಾಡುವ ಬದಲು ಕುಳಿತಾದ ಅಂದೆತದ್ದೋ ಪ್ರಶಾಂತತೆ ಒದಗಿದೆ ಇಂದು! ನನಗೆ ನಾನೇ ಹಳೆಯ ಸ್ನೇಹಿತನಾಗಿ ಕುಳಿತುಕೊಂಡು ನನ್ನದೇ ಮಾತುಗಳಿಗೆ ನಾನೇ ಕಿವಿಯಾಗುವ ಸರತಿ ಇಂದು ಒದಗಿತೇ?
ನನಗೆ ನಾನೇ ಹೇಳಿಕೊಳ್ಳುವುದು ಪರಕೀಯವೆನ್ನಿಸಿದರೂ ಒಂದಿಷ್ಟು ಉಸಿರಾಡಲು ಸರಾಗವೆನಿಸಿದೆ. ಕೈ ಮುಷ್ಟಿಗಟ್ಟಿದರೂ ಒಳಗೇ ಸಡಿಲವಾಯಿತು. ಮಡಿಸಿದ ಮೊಣಕೈ ತೊಡೆಯ ಮೇಲೆ ಒತ್ತುವುದನ್ನು ನಿಲ್ಲಿಸಿ ಹಗುರವಾಗಿ ಹತ್ತಿಯಂತೆ ಊರಿತು. ಮಧ್ಯಾಹ್ನದಲ್ಲೂ ತಂಗಾಳಿಯು ಮುಖಕ್ಕೆ ಮುತ್ತಿಡತೊಡಗಿತು.
ನಾಳೆ ಈ ಚಿಂತಾಚಕ್ರ ಮತ್ತೆ ತಿರುಗಣಿಯಾಗಬಹುದೇನೋ. ಆದರೆ ಚಿಂತೆಗಳ ನಡುನಡುವೆ ಒಂದಿಷ್ಟು ಉಸಿರುತೆಗೆದುಕೊಳ್ಳಲು ಸಾಧ್ಯವಾಗಿದ್ದು, ಏರುವುದನ್ನು, ಇಳಿಯುವುದನ್ನು ಬಿಟ್ಟು ಈ ಮೆಟ್ಟಿಲುಗಳ ಮೇಲೆ ಕೂತಿದ್ದಕ್ಕೆ.
‘ಹೌದು ಕಣೋ ಆತ್ಮಾ, ಹೌದು!’

ಅಂತರಂಗ
ಡಾ. ಆತ್ಮಾರಾಮನ ಆತ್ಮನಿವೇದನೆ ; ಒಳಗನ್ನಡಿಯಲ್ಲಿ ಮೌನದ ಮುಖ
~ಯೋಗೇಶ್ ಮಾಸ್ಟರ್, ಚಿಂತಕರು
ಆಪ್ತ ಸಮಾಲೋಚಕ ಮತ್ತು ಮನೋವೈದ್ಯ
ಹಾಗಂತಿರುವ ನನ್ನ ಮನೆಯ ಮುಂದಿನ ನನ್ನ ಪರಿಚಯ. ಅದನ್ನೇ ನಾನೆಂದು ತಿಳಿದಿರುವ ಹೊರಗಿನವರಿಗೆಲ್ಲಾ ನನ್ನೊಳಗಿರುವ ಅಪರಿಚಿತನ ಹೇಗೂ ಕಾಣಲಾಗದು.
ಲೋಕ ಕಾಣುವ ಅಥವಾ ನಾನು ತೋರುವ ಮುಖದ ಮುಸುಕನ್ನು ಸರಿಸಿ ಇಣುಕುವಷ್ಟು ಯಾರಿಗಾದರೂ ಅದೆಷ್ಟು ಬಿಡುವಿರುವುದು! ಪರದೆಯ ಮೇಲಿನ ಡಾ. ಆತ್ಮಾರಾಮನ ನೆರಳಿನಾಟವನ್ನು ಮೆಚ್ಚುವರು, ಹೊಗಳುವರು, ತೆಗಳುವರು, ತಿರಸ್ಕರಿಸುವರು; ಅವರವರ ಕಣ್ಣುಗಳ ಅಭಿರುಚಿಗೆ ತಕ್ಕಂತೆ.
ಪರರ ರುಚಿಗೆ ಎಟಕುವುದು ಚಹರೆಗಳೇ ತಾನೇ! ಅವರ ಕಣ್ಣುಗಳಿಂದಲೇ ನನ್ನ ನಾನು ಕಂಡುಕೊಳ್ಳಲು ಅಥವಾ ಕಾಣಿಸಿಕೊಳ್ಳಲು ಸಾಕಾಗಿ ನನ್ನ ಕಣ್ಣುಗಳು ಮುಚ್ಚಿಕೊಂಡವು. ಅದೆಷ್ಟೋ ಹೊತ್ತು ಹಾಗಿದ್ದೆನೋ!
ಚಹರೆಗಳ ನೆರಳುಗಳನ್ನು ನುಂಗಿಕೊAಡ ಕಣ್ಣೊಳಗಿನ ಕತ್ತಲೆಯಲ್ಲಿ ಬೆತ್ತಲೆಯಾಗಿರುವುದು ಸುಖ. ಅದು ನಿರಾಳತೆಯ ಸುಖ. ತರಾವರಿ ತೊಡುಗೆಗಳ ತೂಕವನಿಳಿಸಿಕೊಂಡ ನಿರಾತಂಕದ ನೆಮ್ಮದಿ. ಕತ್ತಲು; ಅದೆಷ್ಟು ಆಳ! ಗೂಢತೆಗಳ ಮೇಳವದೆಷ್ಟಿದ್ದರೂ ತೋರ್ಪಡಿಸಿಕೊಳ್ಳುವ ಕಾತುರವಿಲ್ಲದ ನಿರಹಂಕಾರದ ನಿರಾಳತೆ!
ಬೆಳಕಿನದೇ ಸಮಸ್ಯೆ. ಅದರಲ್ಲದೆಷ್ಟು ಬಣ್ಣಗಳು, ಬಣ್ಣನೆಗಳು. ವ್ಯತ್ಯಾಸಗಳು, ವ್ಯತ್ಯಯಗಳು. ಸಮೀಕರಣಗಳು, ಅಸಮಾನತೆಗಳು. ಉಪಮೆಗಳು, ಉದಾಹರಣೆಗಳು. ಸಾಧಾರಣಗಳು, ಅಸಾಧರಣಗಳು. ಅಸೂಯೆಗಳು, ಆಯಾಸಗಳು. ಕತ್ತಲು ನೆಮ್ಮದಿ. ಮುಚ್ಚಿರುವ ಕಣ್ಣೊಳಗಿನ ಕತ್ತಲಿನಲ್ಲಿ ಕಾಣತೊಡಗಿದ ನನ್ನ ಬಿಂಬವನ್ನು ನೋಡುತ್ತಲೇ ಕುಳಿತುಬಿಟ್ಟೆ. ಹೌದಲ್ಲಾ, ಇಷ್ಟು ಕಾಲ ಮುಚ್ಚಿಟ್ಟಿದವರೇ ಈಗ ಬಿಚ್ಚಿಡುತ್ತಿದ್ದಾರೆ.
ಹೌದು, ಮನಸ್ಸೆಂಬುದೇ ಹಾಗೆ. ಅದು ತನಗೆ ತಾನೇ ತೊಂದರೆಯನ್ನು ಉಂಟುಮಾಡಿಕೊಳ್ಳುತ್ತದೆ. ತಾನೇ ಗೋಗರೆಯುತ್ತದೆ. ತಾನೇ ಸಹಾಯವನ್ನು ನಿರಾಕರಿಸುತ್ತದೆ. ತಾನೇ ಗೋಳಿಡುತ್ತದೆ. ತಾನೇ ಸಂತೈಸುತ್ತದೆ.
ತಿಕ್ಕಲು, ತಾನೇ ಹಾಳು ಮಾಡುವುದು, ತಾನೇ ಗೋಳಿಡುವುದು, ತಾನೇ ಸರಿ ಮಾಡುವುದು. ಈಗ ಸರಿಮಾಡಿಕೊಳ್ಳುವ ಮಗ್ಗುಲಿಗೆ ತಿರುಗಿಕೊಂಡಿದೆ. ಸರಿ ಹೋಗಿಬಿಡಲಿ.
ಸರಿ ಹೋಗುವುದೋ ಬಿಡುವುದೋ, ಸರಿಯಿಲ್ಲ, ಸರಿ ಮಾಡಬೇಕಾಗಿದೆ ಅಂತ ಗೊತ್ತಾಯಿತಲ್ಲಾ ಅಷ್ಟೇ ಸಾಕು.
ರೋಗವಿದೆ ಎಂಬ ಅರಿವು ಬಹುದೊಡ್ಡ ಉಪಶಮನ. ರೋಗವನ್ನೇ ಆರೋಗ್ಯವೆಂದು ಭಾವಿಸಿದ್ದು, ಈಗ ರೋಗ ಎಂದು ತಿಳಿಯಿತಲ್ಲಾ, ಅದೇ ಗುಣಮುಖವಾಗುವ ಮುನ್ಸೂಚನೆ.
ಇಷ್ಟೂ ದಿನಗಳ ಕಾಲ ಕನ್ನಡಿಯೊಳಗೆ ಮುಖ ನೋಡಿಕೊಳ್ಳುತ್ತಿದ್ದದ್ದು, ಇತರರಿಗೆ ಹೇಗೆ ಕಾಣಿಸುತ್ತೇನೆ, ಹೇಗೆ ಕಾಣಿಸಬೇಕು ಎಂದು. ಆದರೆ ಇಂದು ಕತ್ತಲಿನ ಕನ್ನಡಿಯಲ್ಲಿ ಕಾಣುತ್ತಿರುವ ಮುಖದ ಒಳಗಿನ ಮೌನ ತನ್ನ ಗುರುತಿನ ಪರದೆಯನ್ನು ಹರಿಯುತ್ತಿದೆ. ಯಾವ ಅಡಿಗಿದ್ದ ಮೌನ ನನ್ನಾತ್ಮದ ಕವಚವಾಗಿತ್ತೋ ಅದು ಕಾರಾಗೃಹವೆನಿಸಿ ಉಸಿರುಕಟ್ಟಿಸಿದ್ದು ಒಳ್ಳೆಯದೇ ಆಯಿತು.
ಮೌನ ದನಿಯಾಗುತ್ತಿದೆ. ದನಿ ಬನಿಯಾಗುತ್ತಿದೆ.
ಹಾಗಾಗಿಯೇ ಬೆಳಕಿನಲ್ಲಿ ವಿವಿಧ ಬಣ್ಣಗಳನ್ನು ಹಚ್ಚಿ ಬಣ್ಣಿಸಿದ್ದ ಎಲ್ಲಾ ಸಂಬAಧಗಳು, ಸಂಗತಿಗಳು, ಸಂವಹನಗಳು, ಸಂಘರ್ಷಗಳು ಈಗ ನೆನಪಿನ ನೆರಳುಗಳಾಗಿ ಆಳವಾದ ಕತ್ತಲಲ್ಲಿ ಬಣ್ಣ, ಬಣ್ಣನೆಗಳನ್ನು ಕಳೆದುಕೊಂಡಿವೆ.
ಅವರಿವರ ಮನಸ್ಸುಗಳ ಮಸುಕು ಮಾಡುವ ಮುಸುಕುಗಳ ತೆಗೆಯಲು ಸಹಕರಿಸುತ್ತಿದ್ದವನಿಗೆ ಸ್ವಸಹಾಯ ಮಾಡಿಕೊಳ್ಳಲು ಅದೇ ಮನಸ್ಸು ಮನಸ್ಸು ಮಾಡಿದೆ. ಆಗಲಿ, ಅದೂ ಆಗಿ ಹೋಗಲಿ.
ಮನೋವೈದ್ಯ ತನ್ನೊಳಗಿನ ರೋಗವನ್ನು ಪತ್ತೆ ಮಾಡಿಕೊಳ್ಳಲಿ. ಆಪ್ತ ಸಮಾಲೋಚಕ ತನ್ನಿರುವಿಗೆ, ತನ್ನಾಳಕೆ ಒಂದಿಷ್ಟು ಕಾಲ ಆಪ್ತನಾಗಿರುವ ಅವಕಾಶವನ್ನು ದಕ್ಕಿಸಿಕೊಳ್ಳಲಿ. ಮೌನವನ್ನು ಓದುವ ಓರಗೆಯವರಿದ್ದಾರೆ. ಓದಲಿ.
ವೈದ್ಯನೊಬ್ಬ ತಾನು ರೋಗಿಯಾಗಿರಲಿಲ್ಲ, ಅಥವಾ ತನಗೆ ರೋಗ ಬರುವುದಿಲ್ಲ ಎನ್ನುವುದು ಆತ್ಮವಂಚನೆ. ತನಗೆ ತಾನು ವಂಚಿಸಿಕೊಳ್ಳುವವನು ಜಗತ್ತಿನ ಯಾರೊಂದಿಗೆ ವಿಶ್ವಾಸವನ್ನು ಸಂಚಯ ಮಾಡಿಯಾನು!
ಮತ್ತೆ ಸಿಕ್ಕಿದನವನು ಮೌನದಲಿ
ಕಳೆದಿದ್ದವನು ಗದ್ದಲದಲಿ
ಗಾಯಗಳು ಮರೆತಿವೆ
ನೋವಿಲ್ಲದ ಕಲೆಗಳ ಹಿಂದೆ
ಪ್ರತಿ ಉಸಿರು ಆಸೆಗಳ ಬಸಿರು
ಹೆರಲಾಗದೆ ಘನವಾದ ಕಣ್ಣೀರು
ಕರಗುವುದೊಮ್ಮೆ ಹೆಪುö್ಪಗಟ್ಟಿದ ಕಾರ್ಮೋಡ
ಸುರಿವುದಲ್ಲಿ ಒಳಗಣ್ಣಿಂದ ಮಳೆಯು ನೋಡ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ದಿಮಾಗಿ ನಕ್ಸಲ್-ನಗರ ನಕ್ಸಲ್
~ರಹಮತ್ ತರೀಕೆರೆ, ಚಿಂತಕರು
ಕಾರ್ನಾಡರಲ್ಲಿ ನನಗೆ ಮೊದಲಿಂದಲೂ ವೈಯಕ್ತಿಕ ಸಂಪರ್ಕ ಇರಲಿಲ್ಲ. ಅನಂತಮೂರ್ತಿ ಅವರಂತೆ ಅವರು ಕಿರಿಯ ಲೇಖಕರ ಜತೆ ನಂಟಿರಿಸಿಕೊಂಡವರಲ್ಲ. ಯಾರಿಗಾದರೂ ಮುನ್ನುಡಿ ಬರೆದಿದ್ದೂ ನನಗೆ ತಿಳಿದಿಲ್ಲ. ತಾವಾಯಿತು ತಮ್ಮ ಬರೆಹ, ಸಿನಿಮಾ ಆಯಿತು ಎಂದಿದ್ದವರು. ಮಹಾರಾಷ್ಟ್ರದಲ್ಲಿ ಹುಟ್ಟಿ, ಜೀವಿತದ ಬಹುಕಾಲ ಕರ್ನಾಟಕದ ಹೊರಗಿದ್ದ ಅವರು, ಕರ್ನಾಟಕದ ಸಾರ್ವಜನಿಕ ಕಾರ್ಯಕ್ರಮಗಳಲ್ಲೂ ಹೆಚ್ಚು ಕಾಣಿಸಿದವರಲ್ಲ. ಸಮಕಾಲೀನರಾದ ತೇಜಸ್ವಿ ಲಂಕೇಶ್ ಅನಂತಮೂರ್ತಿ ಅವರಂತೆ ಪಬ್ಲಿಕ್ ಇಂಟಲೆಕ್ಚುವಲ್ ಕೆಲಸವನ್ನು ಮೈಮೇಲೆ ಹಾಕಿಕೊಂಡು, ಕರ್ನಾಟಕದ ಕಷ್ಟದ ದಿನಗಳಲ್ಲಿ ತಮ್ಮ ಮಾತು ಭಾಷಣ ಬರೆಹಗಳಿಂದ ಜನಾಭಿಪ್ರಾಯ ರೂಪಿಸಿದವರಲ್ಲ.
ಹೀಗಿದ್ದ ಕಾರ್ನಾಡರು ಬಾಳಿನ ಕೊನೆಯ ವರ್ಷಗಳಲ್ಲಿ ಆಶ್ಚರ್ಯಕರವಾಗಿ ಬದಲಾದರು; ಸಾರ್ವಜನಿಕ ಮಹತ್ವದ ಪ್ರಸಂಗಗಳಲ್ಲಿ ಮಾತಾಡಿದರು. ಹಠಬಿದ್ದಂತೆ ಬೀದಿಗಿಳಿದರು. ಈ ರೂಪಾಂತರಕ್ಕೆ ಕಾರಣ, ಪ್ರಭುತ್ವಗಳು ರಾಜಕೀಯ ಸೈದ್ದಾಂತಿಕ ಭಿನ್ನಮತಗಳನ್ನು ದಮನಿಸುವ ನಡೆಗಳಿರಬಹುದು; ಅನಂತಮೂರ್ತಿ ತೇಜಸ್ವಿ ಲಂಕೇಶ್ ತೀರಿಕೊಂಡ ಬಳಿಕ, ಉಂಟಾದ ರಿಕ್ತತೆ ಅವರನ್ನು ಈ ಹೊಸ ಪಾತ್ರ ನಿರ್ವಹಿಸುವಂತೆ ಆಹ್ವಾನಿಸಿರಬಹುದು. ಅವರು ತಮ್ಮ ಮಾತು, ಕೃತಿ, ಕ್ರಿಯೆಗಳಲ್ಲಿ ಭಾರತವನ್ನು ಆವರಿಸುತ್ತಿರುವ ಮತೀಯತೆ ಕುರಿತು ವ್ಯಗ್ರರಾಗಿದ್ದರು.
ಅವರು ಮಾಡಿದ ಸಾರ್ವಜನಿಕ ಪ್ರತಿರೋಧದ ಪ್ರಕರಣಗಳನ್ನು ಗಮನಿಸಬೇಕು. ಬಾಬರಿ ಮಸೀದಿಯ ಧ್ವಂಸವನ್ನು ವಿರೋಧಿಸಿದ್ದು; ನೈಪಾಲರ ಬಲಪಂಥೀಯವಾದ ಬೆಂಬಲಿಸುವ ನಿಲುವನ್ನು ಖಂಡಿಸಿದ್ದು; ಬಾಬಾಬುಡನಗಿರಿ ಚಳುವಳಿಯಲ್ಲಿ ಭಾಗವಹಿಸಿದ್ದು; ಟಿಪ್ಪು ನೆನಪಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು; ಟಿಪ್ಪು ಕುರಿತು ನಾಟಕ ಬರೆದಿದ್ದು; ಎಂ. ಎಫ್. ಹುಸೇನರ ಸೃಜನಶೀಲತೆ ಪರವಾಗಿ ನಿಂತಿದ್ದು; ಗೋರಕ್ಷಣೆ ಹೆಸರಲ್ಲಿ ನಡೆಯುತ್ತಿರುವ ಉಪಟಳ ವಿರೋಧಿಸಿ `ನಮ್ಮ ಆಹಾರ ನಮ್ಮ ಹಕ್ಕು’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು. ಇಲ್ಲಿನ ಕೊನೆಯ ಕಾರ್ಯಕ್ರಮದಲ್ಲಿ ಅವರೊಟ್ಟಿಗೆ ಅನಂತಮೂರ್ತಿಯವರೂ ಇದ್ದರು. ಭಾರತದಲ್ಲಿ ಇಬ್ಬರು ಜ್ಞಾನಪೀಠ ಲೇಖಕರು ಇಂತಹದೊಂದು ಸಾರ್ವಜನಿಕ ಪ್ರತಿರೋಧದ ಕಾರ್ಯಕ್ರಮದಲ್ಲಿ ಒಟ್ಟಿಗೆ ಭಾಗವಹಿಸಿದ್ದು ಅಪೂರ್ವ ಸಂಗತಿ.
ನನಗೆ ಅವರ ಜತೆ ಮೊದಲ ಮುಖಾಬಿಲೆ ಆಗಿದ್ದು ಬಾಬಾಬುಡನಗಿರಿಗೆ ಮಾಡಿದ ಪಯಣದಲ್ಲಿ. ಸೂಫಿಗಳ ಮೇಲೆ ತುಸು ಅಧ್ಯಯನ ಮಾಡಿದವನೆಂದು ನನ್ನನ್ನು ಅವರೊಟ್ಟಿಗೆ ಕೂರಿಸಲಾಗಿತ್ತು. ಅವರ ಗಂಭೀರ ಸ್ವಭಾವದ ಬಗ್ಗೆ ತಿಳಿದಿದ್ದ ನಾನು, ಅವರಾಗಿ ಏನಾದರೂ ಕೇಳಿದರೆ ಮಾತ್ರ ಹೇಳಬೇಕೆಂದು, ಸಹಪಯಣದ ಖುಶಿಯನ್ನು ಅನುಭವಿಸುತ್ತ ಜತೆಗೆ ಕೂತಿದ್ದೆ. ಗಿರಿಯನ್ನು ವಾಹನ ಹತ್ತುವಾಗ, ನೆತ್ತಿಮೇಲಣ ಶಿಖರಗಳನ್ನೂ ಕೆಳಗಿನ ಕಣಿವೆಗಳನ್ನೂ ನೋಡುತ್ತ ಕಾರ್ನಾಡರು `ಓಹ್ ಎಷ್ಟೊಂದು ಸುಂದರವಾಗಿದೆಯಲ್ಲ’’ ಎಂದು ಉದ್ಗರಿಸುತ್ತ ಮಗುವಿನಂತೆ ಪುಟಿಯುತ್ತಿದ್ದರು.
ಅವರೊಬ್ಬ ಸೆಲೆಬ್ರಿಟಿಯಾದರೂ ಸರಳವ್ಯಕ್ತಿ. ಅಭಿನಯ ಅವರ ವೃತ್ತಿಯಾದರೂ ವ್ಯಕ್ತಿಯಾಗಿ ತೋರಿಕೆಯೇ ಇಲ್ಲದ ನೇರಗುಣದವರು. ಗೋಕರ್ಣದಲ್ಲಿ ನಡೆದ ಗೌರೀಶ ಕಾಯ್ಕಿಣಿಯವರ ಶತಮಾನೋತ್ಸವ ಕಾರ್ಯಕ್ರಮದಲ್ಲಿ ನಮ್ಮನ್ನು ತೋಟದ ಮನೆಯೊಂದರಲ್ಲಿ ಉಳಿಸಲಾಗಿತ್ತು. ಕಾರ್ನಾಡರು ನನಗಿಂತಲೂ ವೈದ್ಯೆಯಾದ ನನ್ನ ಮಗಳ ಜತೆ ಹೆಚ್ಚು ಮಾತನಾಡಿದರು. ಆದಿನ ನಾನು ಅವರ `ಆಡಾಡ್ತಾ ಆಯುಷ್ಯ’ ಒಳಗೊಂಡಂತೆ (ಬೆರಗು ಹುಟ್ಟಿಸುವ ಭಾಷೆಯುಳ್ಳ ವಿಶಿಷ್ಟ ಗದ್ಯಶೈಲಿಯ ಕೃತಿಯಿದು) ಕನ್ನಡದ ಆತ್ಮಕತೆಗಳ ಬಗ್ಗೆ ಉಪನ್ಯಾಸ ಮಾಡಿದೆ. ಬಸಳೆಸೊಪ್ಪಿನ ಹೊರೆಯನ್ನು ಅವರ ಕೈಯಿಂದ ಉಡುಗೊರೆ ಕೊಡಿಸಲಾಯಿತು. ಉಪನ್ಯಾಸದ ಬಳಿಕ ಕಾರ್ನಾಡರು ಕೇಳಿದರು: “ಭಾರತದ ಮೊಟ್ಟಮೊದಲ ಆತ್ಮಕಥೆ `ಅರ್ಧಕಥಾನಕ’ ಓದಿದ್ದೀರಾ?” “ಇಲ್ಲ” “ನೀವು ಓದಲೇಬೇಕು. ಅಪರೂಪದ ಪುಸ್ತಕ. 16ನೇ ಶತಮಾನದ್ದು’’. ಬೆಂಗಳೂರಿಗೆ ಹೋದೊಡನೆ ನೆರಳಚ್ಚನ್ನು ಕಳಿಸಿಕೊಟ್ಟರು. ವ್ಯವಹಾರ ಪ್ರಜ್ಞೆಯಿಲ್ಲದವನೂ ಕಾವ್ಯಪ್ರೇಮಿಯೂ ಆದ ಜೈನ ವ್ಯಾಪಾರಿಯೊಬ್ಬನ ರೋಚಕ ಅನುಭವಗಳ ಕಥನವದು.
ಹೀಗೆ ಸಣ್ಣಗೆ ಆರಂಭವಾದ ಪರಿಚಯ `ಅಮೀರಬಾಯಿ ಕರ್ನಾಟಕಿ’ ಪುಸ್ತಕದ ಸನ್ನಿವೇಶದಲ್ಲಿ ಧಕ್ಕೆಗೊಳಗಾಯಿತು. ನಾನು ಅಮೀರಬಾಯಿ ಸಂಶೋಧನೆಗೆಂದು ಪುಣೆ ಮುಂಬೈ ತಿರುಗಾಡುವಾಗ, ಮಹಾರಾಷ್ಟ್ರದಲ್ಲಿ ಕಾರ್ನಾಡರಿಗೆ ಸಿನಿಮಾ ಮತ್ತು ಸಾಹಿತ್ಯ ಕ್ಷೇತ್ರದಲ್ಲಿರುವ ಮರ್ಯಾದೆಯನ್ನು ಗಮನಿಸಿದ್ದೆ. ಮರಾಠಿ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾಡಿದ ದಿಟ್ಟ ಭಾಷಣವು-ಅದರಲ್ಲಿ ರಾಜಕೀಯ ಪಕ್ಷಗಳು ಸೈನೀಕರಣಗೊಳ್ಳುವುದರ ಬಗ್ಗೆ ಕಟುವಾದ ವಿಮರ್ಶೆಯಿದೆ- ಅಲ್ಲಿನ ಲೇಖಕರು ನೆನಪಿಟ್ಟಿದ್ದರು. ಕನ್ನಡ-ಮರಾಠಿ ಸಾಂಸ್ಕøತಿಕ ಬಾಂಧವ್ಯದ ಕೊಂಡಿಯಾಗಿದ್ದ ಅಮೀರಬಾಯಿ ಕುರಿತ ಹೊತ್ತಗೆಯನ್ನು ಅವರೇ ಬಿಡುಗಡೆ ಮಾಡಿದರೆ ಚೆನ್ನವೆನಿಸಿತು. ಹೇಗೂ `ಸಾಹಿತ್ಯ ಸಂಭ್ರಮ’ದ ಕಾರ್ಯಕ್ರಮಕ್ಕಾಗಿ ದಿನ ಮೊದಲೇ ಧಾರವಾಡಕ್ಕೆ ಬರುತ್ತಿದ್ದರು. ಹಿಂದಿನ ದಿನ ಸಂಜೆ ಬಿಡುಗಡೆ ಮಾಡಲು ಸಾಧ್ಯವೇ ಎಂದು ಕೇಳಿದೆ. ಕೂಡಲೇ ಒಪ್ಪಿದರು.
ಆದರೆ ಸಾಹಿತ್ಯ ಸಂಭ್ರಮ ಕಾರ್ಯಕ್ರಮದ ಸ್ವರೂಪದ ಬಗ್ಗೆ ಭಿನ್ನಮತ ವ್ಯಕ್ತಪಡಿಸಿ ನಾನು ಭಾಗವಹಿಸದೆ ಹೊರಗುಳಿದೆ. ಕಾರ್ನಾಡರು ಕರೆ ಮಾಡಿ “ನೀವು ಸಂಭ್ರಮಕ್ಕೆ ಬರಲು ನಿರಾಕರಿಸಿದರಂತೆ. ನಿಜವೇ?’’ ಎಂದು ಕೇಳಿದರು. ಹೌದೆಂದೆ. `ಹಾಗಿದ್ದಲ್ಲಿ ನಿಮ್ಮ ಕಾರ್ಯಕ್ರಮಕ್ಕೆ ಬರಲಾರೆ, ಕ್ಷಮಿಸಿ’ ಎಂದರು. `ಆಗಲಿ’ ಎಂದೆ. ಅವರಿಗೆ ತಾನು ಹಾಗೆ ಮಾಡಿದ್ದು ಸರಿಯಲ್ಲ ಅನಿಸಿರಬೇಕು. ಧಾರವಾಡದಲ್ಲಿರುವ ತಮ್ಮ ಒಡನಾಡಿ ಸುರೇಶ ಕುಲಕರ್ಣಿಯವರೊಟ್ಟಿಗೆ ತಮ್ಮ ಚಡಪಡಿಕೆ ಹಂಚಿಕೊಂಡರಂತೆ. ಆದರೆ ನಾನು ಕಾರ್ಯಕ್ರಮ ಮುಗಿದ ಬಳಿಕ ಪುಸ್ತಕದ ಗೌರವಪ್ರತಿ ಕಳಿಸಿಕೊಟ್ಟೆ. ಚೆನ್ನಾಗಿ ಬಂದಿದೆ ಎಂದು ಪತ್ರ ಬರೆದರು. ಅವರು ಆ ಘಟನೆಯನ್ನು ಮನಸ್ಸಿನಲ್ಲಿ ಇಟ್ಟುಕೊಂಡಂತೆ ಕಾಣಲಿಲ್ಲ. ತಮ್ಮ ಪರಿಚಿತರು ಯಾರಾದರೂ ಹಂಪಿ ನೋಡಬಯಸಿದರೆ, ನನ್ನ ಸಲಹೆ ಪಡೆಯಲು ಹೇಳುತ್ತಿದ್ದರು. ಒಮ್ಮೆ ಅವರ ನಾಟಕಗಳಲ್ಲಿ ನಟಿಸುವ ಬಂಗಾಳದ ನಟಿ ಹಂಪಿಯಲ್ಲಿ ಹಣ ಪಾಸ್ಪೋರ್ಟುಳ್ಳ ಪರ್ಸನ್ನು ಕಳೆದುಕೊಂಡರು. ಕಾರ್ನಾಡರು ಕರೆಮಾಡಿ ಆಕೆಗೆ ಬೆಂಗಳೂರಿನ ತನಕ ಬರಲು ಸಹಾಯ ಮಾಡುವುದು ಸಾಧ್ಯವೇ ಎಂದು ಕೇಳಿದರು.
ಸಂವಾದಕ್ಕೆ ಸದರವಾಗಿ ಸಿಗುವ ಲೇಖಕರಲ್ಲದ ಗಿರೀಶ್, ಬಾಳಿನ ಕೊನೆಯ ದಿನಗಳಲ್ಲಿ ತಮ್ಮ ಲಾಗಾಯ್ತಿನ ಸ್ವಭಾವಕ್ಕೆ ಪ್ರತಿಯಾಗಿ, ಸಾಂಸ್ಕøತಿಕ ನಾಯಕತ್ವದ ದನಿ ಮೊಳಗಿಸಿದರು. ತಮಗೆ ತಪ್ಪೆಂದು ಕಂಡ ವಿಷಯಗಳಲ್ಲಿ ಪರಿಣಾಮ ಲೆಕ್ಕಿಸದೆ ದಿಟ್ಟತನದ ನಿಲುವು ತೆಗೆದುಕೊಂಡರು. ತಮ್ಮ ತಾತ್ವಿಕ ರಾಜಕೀಯ ನಿಲುವಿಗೆ ವಿರುದ್ಧವಿರುವ ದೊಡ್ಡ ಸಾಧಕರನ್ನೂ ಲೆಕ್ಕಿಸದೆ ಶಾಬ್ದಿಕ ಹಿಂಸೆಗೆ ಗುರಿಪಡಿಸುವ ಈಚಿನ ಪದ್ಧತಿಗೆ ಬಲಿಯೂ ಆದರು. ಗೌರಿಲಂಕೇಶ್ ಸ್ಮರಣ ಕಾರ್ಯಕ್ರಮಕ್ಕೆ `ನಾನೂ ನಗರ ನಕ್ಸಲ್’ ಎಂದು ಕೊರಳಿಗೆ ಬೋರ್ಡು ಸಿಕ್ಕಿಸಿಕೊಂಡು ಬಂದ ಸನ್ನಿವೇಶ ನೆನಪಾಗುತ್ತಿದೆ. ಅದು ತೀರಾ ನಾಟಕೀಯವಾಗಿತ್ತು. ಆದರೆ ಅವರ ಸ್ಪಷ್ಟತೆ ಧೈರ್ಯ ಸಿಟ್ಟು ಹತಾಶೆ ಆಕ್ಟಿವಿಸಂಗಳ ಆತ್ಯಂತಿಕ ರೂಪಕವಾಗಿತ್ತು. ಆರೋಗ್ಯ ಸರಿಯಿರಲಿಲ್ಲ. ಕೈಯಲ್ಲಿ ಆಮ್ಲಜನಕದ ಸಿಲಿಂಡರನ್ನು ಹಿಡಿದಿದ್ದರು. ಅಪರಾಧಿಗಳ ಕೊರಳಿಗೆ ಫಲಕ ತೂಗುಹಾಕುವುದು ಕ್ರಮವಿದೆ. ಶಿಲುಬೆಗೇರಿದ ಕ್ರಿಸ್ತನ ಕೊರಳಿಗೂ `ನಜರೇತಿನ ಅರಸ’ ಎಂಬ ವ್ಯಂಗ್ಯದ ಫಲಕ ತೂಗಿಸಲಾಗಿತ್ತು. ಆದರೆ ಕಾರ್ನಾಡರು ಇದನ್ನು ಸ್ವತಃ ಧಾರಣಮಾಡಿದ್ದರು. `ವಿಚಾರ ಮಾಡುವುದು, ಪ್ರಭುತ್ವವನ್ನು ವಿಮರ್ಶಿಸುವುದು, ಮತಧರ್ಮದ ಹಿಂಸೆ ಖಂಡಿಸುವುದು ಅಪರಾಧವಾದರೆ ನಾನೂ ಅಪರಾಧಿ’ ಎಂಬ ನಾಟಕೀಯ ತಪ್ಪೊಪ್ಪಿಗೆಯನ್ನು ಅದು ಒಳಗೊಂಡಿತ್ತು. ಜನಪದ ಮಿತ್ ಮತ್ತು ಪುರಾಣಗಳನ್ನು ನಾಟಕಗಳಿಗೆ ದುಡಿಸಿಕೊಂಡ ಕಾರ್ನಾಡರು ನಾಗರಿಕ ಹಕ್ಕುಗಳ ವಿಷಯ ಬಂದರೆ, ಮುಕ್ತ ಸಮಾಜದ ಪರವಾದ ಆಕ್ಸಫರ್ಡ್ ಪದವೀಧರರೇ. ನಾಗರಿಕ ಸಮಾಜವೊಂದರಲ್ಲಿ ಸಹಜವಾಗಿ ಇರಬೇಕಾದ ಸ್ವಾತಂತ್ರ್ಯದ ಪರವಾಗಿ ಅವರು ಸದಾ ಆಲೋಚಿಸುತ್ತಿದ್ದರು. ಫಲಕದಲ್ಲಿರುವ ಬರೆಹವು ಸ್ವಹಸ್ತಾಕ್ಷರದಲ್ಲಿತ್ತು. ದೇಶದ ಸುದ್ದಿಯಾಗಬೇಕೆಂದೇ ಇಂಗ್ಲೀಶಿನಲ್ಲಿತ್ತು. ಅದರಲ್ಲಿ ದೇಶೀಭಾಷೆಯ ಲೇಖಕ ಎಂಬುದನ್ನು ದಾಖಲಿಸುವಂತೆ `ನಾನು ಕೂಡ’ ಎಂಬ ಎರಡು ಪದಗಳು ಕನ್ನಡದಲ್ಲಿದ್ದವು. ಉಸಿರ್ಗಟ್ಟಿಸುವ ಸನ್ನಿವೇಶಕ್ಕೆ ತುಡಿಯುವಂತೆ ಕೈಯಲ್ಲಿ ಆಕ್ಸಿಜನ್ ಸಿಲಿಂಡರಿತ್ತು.
ಅದೊಂದು ಅಭಿಮಾನ ಉಕ್ಕಿಸುವ ಮತ್ತು ಎದೆಕರಗಿಸುವ ಚಿತ್ರ; ಸಮಾಜದ ಹದುಳಕ್ಕಾಗಿ ತನ್ನ ಬೇನೆಯಲ್ಲೂ ಲೇಖಕ ರಿಸ್ಕ್ ತೆಗೆದುಕೊಳ್ಳುವ ಪ್ರತೀಕ. ಕಾರ್ನಾಡರಲ್ಲಿ ಲೆಕ್ಕಾಚಾರ ದ್ವಂದ್ವ ಇರಲಿಲ್ಲ. ಅಂತರಂಗಕ್ಕೆ ಸರಿಯೆನಿಸಿದ್ದನ್ನು ಹೇಳುವ-ಮಾಡುವ ಪ್ರಾಮಾಣಿಕತೆಯಿತ್ತು. ಇದು ಅವರ ಶವಸಂಸ್ಕಾರದಲ್ಲೂ ವ್ಯಕ್ತವಾಯಿತು. ಅವರು ಸತ್ತು ದೊಡ್ಡವರಾದವರು; ಅವರನ್ನು ಕೆಟ್ಟದಾಗಿ ನಡೆಸಿಕೊಂಡು ಬದುಕಿರುವ ನಾವು ಸಣ್ಣವರಾದೆವು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoಬೆಂಗಳೂರು ಕಟ್ಟಡ ತೆರವು ಕಾರ್ಯಾಚರಣೆ: 18 ಅಂತಸ್ತಿನ ಅಪಾರ್ಟ್ಮೆಂಟ್ಗೆ ‘ಡೆಮಾಲಿಷನ್’ ಶುರು!
-
ದಿನದ ಸುದ್ದಿ5 days agoಕಲಬುರಗಿ ಪಾಲಿಕೆಯಲ್ಲಿ ಮತ್ತೆ ಕಾಂಗ್ರೆಸ್ ಮೇಲುಗೈ: ಮೇಯರ್-ಉಪ ಮೇಯರ್ ಸ್ಥಾನವೂ ‘ಕೈ’ ತೆಕ್ಕೆಗೆ!
-
ದಿನದ ಸುದ್ದಿ5 days agoವಾಲ್ಮೀಕಿ ಹಗರಣದ ಕಿಡಿ ಮತ್ತೆ ಬಳ್ಳಾರಿಯಲ್ಲಿ: ನಾಗೇಂದ್ರ ವಿರುದ್ಧ ಜನಾರ್ಧನ ರೆಡ್ಡಿ ವಾಗ್ದಾಳಿ, ಕಾಂಗ್ರೆಸ್ಗೆ ರಾಜೀನಾಮೆ ಸವಾಲು!
-
ದಿನದ ಸುದ್ದಿ2 days agoಬಿಜೆಪಿ ರೈತ ಮೋರ್ಚಾದಿಂದ ಬಂದ್ಗೆ ಕರೆ; ಹಲವು ವೃತ್ತಗಳಲ್ಲಿ ಟೈರ್ಗೆ ಬೆಂಕಿ, ಬೆಂಕಿ ನಂದಿಸಿದ ಪೊಲೀಸರು
-
ದಿನದ ಸುದ್ದಿ6 days agoವೈದ್ಯಕೀಯ ಕಾಲೇಜುಗಳ ಹಾಸ್ಟೆಲ್ ಕ್ಯಾಂಟೀನ್ಗಳಿಗೆ ಅಧಿಕಾರಿಗಳ ಶಾಕ್! 34 ಕ್ಯಾಂಟೀನ್ ಪರಿಶೀಲನೆ, 5ಕ್ಕೆ ನೋಟಿಸ್
-
ದಿನದ ಸುದ್ದಿ5 days agoTrump Oil Deal: ವೆನೆಜುವೆಲಾದ 65 ಬಿಲಿಯನ್ ಬ್ಯಾರೆಲ್ ತೈಲದ ಮೇಲೆ ಅಮೆರಿಕದ ಕಣ್ಣು; ಇದು ವಿಶ್ವದ ಅತಿದೊಡ್ಡ ಡೀಲ್ನಾ?
-
ದಿನದ ಸುದ್ದಿ6 days agoಪಾಕ್ ಗಡಿಯಿಂದ ಡ್ರೋನ್ ಎಂಟ್ರಿ ಶಂಕೆ: ಪೂಂಚ್ನಲ್ಲಿ ಹೈ ಅಲರ್ಟ್, 3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಬೇಟೆ
-
ದಿನದ ಸುದ್ದಿ3 days agoಕುಂದುಕೊರತೆಗಳಿಗೆ ತ್ವರಿತ ಪರಿಹಾರ ನೀಡಲು ಏಕೀಕೃತ ವ್ಯವಸ್ಥೆ; ಶನಿವಾರ ಜನಸಂಪರ್ಕ, ಬುಧವಾರ ಮೂರು ಹಂತದ ಪರಿಶೀಲನೆ

