ಅಂತರಂಗ
ಅರಿಮೆಯ ಅರಿವಿರಲಿ-10 : ನಾನು ಎಂದರೆ ಯಾರು..?
- ಯೋಗೇಶ್ ಮಾಸ್ಟರ್
“ನಮಸ್ಕಾರ” ಎಂದಿರಿ ಅವರಿಗೆ. ಅವರೂ “ನಮಸ್ಕಾರ” ಎಂದರು. ನಿಮ್ಮಿಬ್ಬರ ಭೇಟಿಯಾಗಿ ಹತ್ತು ನಿಮಿಷಗಳಾಗಿವೆ. ಹನ್ನೊಂದನೆಯ ನಿಮಿಷಕ್ಕೆ ಇನ್ಯಾರೋ ಮೂರನೆಯವರು ಅವರಿಗೆ ತಿಳಿದಿರುವವರೋ ಅಥವಾ ಸಾಂದರ್ಭಿಕವಾಗಿ ಬಂದರು. ಅವರು ನಿಮ್ಮನ್ನು ವರ್ಣಿಸಲು ಪ್ರಾರಂಭಿಸುತ್ತಾರೆ. ನಿಮ್ಮದೆಂತಹ ಉದಾತ್ತ ವ್ಯಕ್ತಿತ್ವ, ನೀವು ಎಷ್ಟು ಪ್ರತಿಭಾವಂತರು, ನೀವು ಅವರಿಗೆ ಈಗ ಸಿಕ್ಕಿದ್ದು ಎಷ್ಟು ಅದೃಷ್ಟ; ಇತ್ಯಾದಿ.
ನಿಮ್ಮ ಅಗಣಿತ ಗುಣನಾಮ ಬಹುಪರಾಕುಗಳನ್ನೆಲ್ಲಾ ಕೇಳಿ ನೀವೇನಾದರೂ ಎಣ್ಣೆಗೆ ಬಿದ್ದ ಪೂರಿಯಂತೆ ಉಬ್ಬಿದಿರೋ ನೀವೊಬ್ಬ ನಾರ್ಸಿಸಸ್. ನಿಮ್ಮನ್ನು ಪುಂಖಾನುಪುಂಖವಾಗಿ ಹೊಗಳುತ್ತಿರುವವರು ಕೂಡಾ ಒಬ್ಬ ನಾರ್ಸಿಸಸ್. ಬರಿಯ ಹತ್ತು ನಿಮಿಷದ ಪರಿಚಯದಲ್ಲಿ ನಿಮ್ಮ ಜೀವಮಾನದ ಸಾಧನೆಯನ್ನು ಜಗತ್ತಿಗೆ ಸಾರಲು ಪಣತೊಟ್ಟು ನಿಂತಿರುವ ಮತ್ತು ನಿಮಗೆ ಬೇಕು ಬೇಕಾದ ಎಲ್ಲಾ ಪ್ರಶಸ್ತಿಗಳನ್ನು ಅವರ ಪೆಟ್ಟಿಗೆಯಿಂದ ತೆಗೆತೆಗೆದು ಕೊಡುತ್ತಿದ್ದಾರೆಂದರೆ ಅವರೂ ಕೂಡಾ ಒಬ್ಬ ನಾರ್ಸಿಸಸ್.
ನೀವೂ ಕೂಡಾ ಇಂತೆಯೇ ಅವರನ್ನು ಪ್ರಶಂಸಿಸಬೇಕೆಂದು ಅವರು ನಿಮಗೆ ಲಂಚ ನೀಡುತ್ತಿರುವುದು. ನೀವು ಅವರು ಬಡಿಸಿದ ರಸದೌತಣ ಸವಿದು, ಗಪ್ಪನೆ ಸುಮ್ಮನಾಗಿಬಿಟ್ಟರೆ. ಅವರು ನಿಮ್ಮನ್ನು ಮತ್ತೆಂದೂ ಹೊಗಳಲಾರರು. ನೀವೂ ಹೊಗಳಿದರೋ ಅಲ್ಲಿಗೆ ಕೊಟ್ಟು ಪಡೆಯುವ ವ್ಯವಹಾರ ಸುಸೂತ್ರವಾಗಿ ನಡೆಯುತ್ತಲೇ ಇರುತ್ತದೆ. ಇದು ಕೆಲವು ಸಲ ವೇದಿಕೆಯ ಮೇಲೂ ನಡೆಯುತ್ತದೆ.
ನಮ್ಮ ಸಾಧನೆಯ ಪಟ್ಟಿ ಒಂದು ನಮ್ಮ ಕೈಯ ಒಂದು ಮೊಳದಷ್ಟಿರುತ್ತದೆ. ಆದರೆ ನಮ್ಮನ್ನು ಕರೆಸಿದವರು ಅದನ್ನು ದುಬೈನ ಬುರ್ಜಾ ಖಲೀಫ್ ಕಟ್ಟಡದಷ್ಟು ಎಳೆದಿರುತ್ತಾರೆ. ಅಲ್ಲಿ ನಮ್ಮನ್ನು ಕರೆಯಿಸಿದವರಿಗೆ ನಾರ್ಸಿಸಸ್ ಹಸಿವೆಗೆ ಎರಡು ಬಗೆಯ ಊಟ ಬೇಕು. ಒಂದು ನಾವು ಕರೆಯಿಸಿರುವ ವ್ಯಕ್ತಿ ಸಾಧಾರಣ ಅಲ್ಲ. ಅಸಮಾನ್ಯ. ಅವರು ಅಷ್ಟು ಅಗ್ರಗಣ್ಯ ಎಂಬ ಚಿತ್ರಣವನ್ನು ಸಭಿಕರಿಗೆ ನೀಡುವುದು ಒಂದಾದರೆ, ಅಷ್ಟು ಹೊಗಳಿಸಿ ಹೂಮಳೆಗರೆಸಿಕೊಂಡವರು ಅದಕ್ಕೆ ಧನ್ಯತಾಭಾವದಿಂದ ಮರುಹೊಗಳಿಕೆ ಕೊಡಬಾರದೇ? ಇಂತಹ ಕಾರ್ಯಕ್ರಮ ಮಾಡುತ್ತಿರುವ ಇವರು ಅದೆಷ್ಟು ಮಹೋನ್ನತ ವ್ಯಕ್ತಿ ಎಂದು ಬಿನ್ನವತ್ತಳೆ ನೀಡದೇ ಹಾಗೇ ಹೋಗುವುದು ನ್ಯಾಯವೇ? ಧರ್ಮವೇ? ಸರಿ, ಪೈಪೋಟಿಗಳ ಮೇಲೆ ಹೊಗಳಬೇಕಾಗುತ್ತದೆ.ಹೊಗಳಿಕೆಗಳ ಹೊನ್ನಶೂಲದಿಂದ ಪರಸ್ಪರ ಇರಿದಿರಿದುಕೊಳ್ಳುತ್ತಿರುವುದು ಆತ್ಮರತಿಯರಿಮೆಯ ಮತ್ತೊಂದು ಫಳಫಳಿಸುವ ಲಕ್ಷಣ.
ಹೊಗಳಿಕೆಗಳ ಸುರಿಮಳೆ ಸುರಿದಾಗ ನಾರ್ಸಿಸಸ್ ಅಲ್ಲದವರಾದರೆ ಸಂಕೋಚದಿಂದ ಹಿಡಿಮುದ್ದೆಯಾಗುತ್ತಾರೆ. ಸ್ಪಂದಿಸುವುದೂ ಕಷ್ಟವಾಗುತ್ತದೆ. ಅಂತವರು ಸುಮ್ಮನಿದ್ದರೆ ಒಪ್ಪಿಕೊಂಡಂತಹ ಕಷ್ಟ, ಅದನ್ನು ಅಲ್ಲಗಳೆದರೆ ಸಭಿಕರ ಮುಂದೆ ಆಯೋಜಕರನ್ನು ಮುಜುಗರಕ್ಕೆ ತಳ್ಳಿದಂತಾಗುವುದು. ಅದಕ್ಕೆ ಅಡ್ಡಗೋಡೆ ಮೇಲೆ ದೀಪವಿಟ್ಟುಬಿಡುತ್ತಾರೆ. “ಇವರು ನನ್ನ ಮೇಲಿನ ಅಭಿಮಾನದಿಂದ ಇಷ್ಟು ಹೇಳುತ್ತಿದ್ದಾರೆ. (ನಾನು ಅಷ್ಟು ಇಲ್ಲ) ಎಂದು ಬ್ರಾಕೆಟಲ್ಲಿ ಓದುವವರಿಗೆ ಅರ್ಥವಾಗುವಷ್ಟು ಒಂದಿಷ್ಟು ನಗೆ ನಕ್ಕು ವಿಷಯವನ್ನು ತೇಲಿಸಿಬಿಡುತ್ತಾರೆ.
ಕೆಲವು ಸಮಾರಂಭಗಳು ಆತ್ಮರತಿಯ ಅಮೋಘ ಮೆರವಣಿಗೆಯೇ ಆಗಿರುತ್ತದೆ. ನಾರ್ಸಿಸಮ್ ಬಗ್ಗೆ ತಿಳಿದಿವರಿಗೆ ಅದು ಬಲ್ಲವನೇ ಬಲ್ಲ ಬೆಲ್ಲದ ರುಚಿಯ ಗಾದೆಯಂತೆ. ಕೆಲವರೆಲ್ಲಾ ಆ ಎಲ್ಲಾ ಹೊಗಳಿಗೆಗಳನ್ನು ಸ್ವೀಕರಿಸುತ್ತಾರೆ. ಹೌದು, ನಾನಿದಕ್ಕೆ ಅರ್ಹ ಎಂದು ಭಾವಿಸಿರುತ್ತಾರೆ. ಇನ್ನೂ ಸರಿಯಾಗಿ ಮತ್ತು ಪೂರ್ತಿಯಾಗಿ ಅವರು ಹೇಳಿಲ್ಲ ಎಂದೂ ಸ್ವಲ್ಪ ನಿರಾಶೆಯಾಗುತ್ತದೆ. ಇವರು ನಾರ್ಸಿಸಮ್ ಪಂಥದವರು.
ನೀವು ಅವರಿಗೆ ನಿರಾಶೆ ಮಾಡಿದಿರೋ, ಉಹುಂ, ಇನ್ನೊಂದು ಸಲ ಅವರು ನಿಮ್ಮನ್ನು ಅವರು ಲಕ್ಷಿಸುವುದಿಲ್ಲ. ನೀವು ಅವರನ್ನು ಸರಿಯಾಗಿ ನೋಡಿಕೊಳ್ಳುವುದಿಲ್ಲ, ಅತಿಥಿಯಾಗಿ ಕರೆದು ಉಪೇಕ್ಷೆ ಮಾಡಿಬಿಡುತ್ತೀರಿ ಎಂದು ನಿಮ್ಮ ಕಡೆ ಹೊರಳುವುದಿಲ್ಲ.
ಹೊಗಳಿಕೆಯೇ ಆಹಾರ
ಆತ್ಮರತಿಯ ಸುಖಿಗಳು ತಮ್ಮನ್ನು ಭೇಟಿ ಮಾಡಿದವರಿಗೆ ತಮ್ಮ ಜೀವನದ ಮಹತ್ವದ ಅನೇಕಾನೇಕ ಘಟನೆಗಳನ್ನು ಹೇಳುತ್ತಿರುತ್ತಾರೆ. ಅದು ಆ ಸಂದರ್ಭಕ್ಕೆ ಬೇಕಿರಲಿ, ಬೇಡದಿರಲಿ. ಹೇಳದೇ ಬಿಡುವುದಿಲ್ಲ. ನೀವು ಕತೆ ಕೇಳಿದಂತೆ ಕೇಳಿ ಸುಮ್ಮನಾಗಿಬಿಟ್ಟರೆ ಅವರಿಗೆ ಬಹಳ ನಿರಾಶೆಯಾಗುತ್ತದೆ. ಅವರು ಅಷ್ಟೂ ಹೊತ್ತು ಹೇಳಿದ್ದೇಕೆಂದರೆ, ಆ ಗುಣಗಳನ್ನೆಲ್ಲಾ ನೀವು ಗುರುತಿಸಿ, ಹೆಕ್ಕಿ, ಒಂದಿಷ್ಟು ಒಳ್ಳೆಯ ಮಾತುಗಳನ್ನಾಡಬೇಕು ಎಂದು. ಅವು ಕಷ್ಟದ ಮತ್ತು ಸಾಹಸದ ಕೆಲಸಗಳಾಗಿರಬಹುದು.
ಯಾರಿಗೋ ಉಪಕಾರ ಮಾಡಿದ್ದಾಗಿರಬಹುದು.ಯಾವುದೋ ಸನ್ನಿವೇಶದಲ್ಲಿ ಹೆಣಗಾಡಿದ್ದೋ, ಹೋರಾಡಿದ್ದೋ ಆಗಿರಬಹುದು.
ಅವರಿಗೆ ಪ್ರಿಯವಾಗುವ ಶಬ್ದಗಳೇನೆಂದರೆ,
“ಅಬ್ಬಾ, ನೀವು ಅದು ಹೇಗೆ ಆ ಸಾಹಸ ಮಾಡಿದಿರಿ? ನೀವಾಗಿದ್ದಕ್ಕೆ ಮಾಡಿದಿರಿ. ಬೇರೆಯವರಾಗಿದ್ದರೆ ಓಡಿ ಹೋಗಿಬಿಡುತ್ತಿದ್ದರು. ಸೋತು ಸುಣ್ಣವಾಗಿಬಿಡುತ್ತಿದ್ದರು.”
“ಈಗಿನ ಕಾಲದಲ್ಲಿ ಯಾರು ಆ ರೀತಿ ನೆರವಾಗುತ್ತಾರೆ. ಎಲ್ಲರೂ ಅವರವರದು ನೋಡಿಕೊಳ್ಳುತ್ತಾರೆ. ನೀವಾಗಿದ್ದಕ್ಕೆ ಅಷ್ಟು ಉಪಕಾರ ಮಾಡಿದ್ದೀರಿ. ನಿಜವಾಗಿಯೂ ನೀವು ಗ್ರೇಟ್.” “ಪ್ಚ್, (ಅವರನ್ನೇ ದಿಟ್ಟಿಸಿ ನೋಡುತ್ತಾ) ನಂಬಕ್ಕೇ ಆಗಲ್ಲ. ನೀವು ಹೇಗೆ ಇವೆಲ್ಲಾ ಮಾಡಿದಿರಿ? ನನಗೆ ನಿಮ್ಮ ಜೊತೆ ಹೀಗೆ ಇರೋದೇ ಹೆಮ್ಮೆ.”
ಆಗ ಅವರ ಮುಖ ನೋಡಿ. ಕಣ್ಣುಗಳಲ್ಲಿ ಹೊಳಪಿರುತ್ತದೆ. ಮುಖದ ಪೂರ್ತಿ ನಗು ತುಂಬಿರುತ್ತದೆ. ವೆಂಕಟೇಶ್ವರ ಮಹಾತ್ಮ್ಯೆ ಸಿನಿಮಾದಲ್ಲಿ ಪ್ರತ್ಯಕ್ಷವಾದ ದೇವರು ನಸುನಗುತ್ತಾ ಭಕ್ತನ ಸ್ತುತಿಗೀತೆಗಳನ್ನು ಕೇಳುತ್ತಾ ತಲೆಯಾಡಿಸುತ್ತಿರುವಂತೆ ಕಾಣುತ್ತದೆ.
ಆತ್ಮರತಿಯ ರತಿಮನ್ಮಥರ ಸಂಭಾಷಣೆಯಲ್ಲಿ ಸಾಮಾನ್ಯವಾಗಿ ಅವರು ಮಾಡಿರುವ ಸಾಧನೆ ಅಥವಾ ಪಟ್ಟಿರುವ ವೇದನೆಗಳಿಂದ ಗೆದ್ದಿರಿವುದ ನಿವೇದನೆ. ಇತರರಿಗಿಂತ ತಾವು ವಿಶೇಷವೆಂದು ತಮ್ಮ ಕೇಳುಗ ಕುರಿಗಳಿಗೆ ಅರ್ಥ ಮಾಡಿಸಬೇಕಾಗಿರುವುದೇ ಅವರ ಗುರಿ.
ಅವರ ಮಾತುಗಳನ್ನು ಮುಂದಿರುವವರು ಕೇಳುತ್ತಿದ್ದಾರೋ ಇಲ್ಲವೋ ಎಂದು ಯೋಚಿಸುವುದೇ ಇಲ್ಲ. ತಮ್ಮ ಮುಂದಿರುವವರು ತಾವು ಕೇಳುತ್ತಿರುವ ಸಂಕೇತವಾಗಿ ಪ್ರಶ್ನೆಗಳನ್ನು ಕೇಳದಿದ್ದರೂ, ಅನುಮಾನಗಳನ್ನು ಮುಂದಿಟ್ಟು ಬಗೆಹರಿಸಿಕೊಳ್ಳಲು ಯತ್ನಿಸದಿದ್ದರೂ ಇವರು ಹೇಳುತ್ತಲೇ ಇರುತ್ತಾರೆ. ಅವರ ಹಸಿವಿಗೆ ಕೇಳುಗರ ಸಕಾರಾತ್ಮಕ ಪ್ರತಿಕ್ರಿಯೆಯೇ ಆಹಾರ.
ಅಪಾರ ಆತ್ಮವಿಶ್ವಾಸದ ವ್ಯಕ್ತಿಯಂತೆ ಕಾಣುವ ಅವರು ಹಾಗೆಯೇ ವರ್ತಿಸುತ್ತಾರೆ. ಅವರ ಆತ್ಮರತಿಗೆ ಸರಸವಾಗಿ ಉಣಬಡಿಸದ ಅರಸಿಕರನ್ನು ಅವರು ಇಷ್ಟಪಡುವುದಿಲ್ಲ. ದೂರಲಿ, ದೂರದಿರಲಿ ಖಂಡಿತವಾಗಿ ದೂರೀಕರಿಸುತ್ತಾರೆ. ಅವರ ಸುತ್ತ ಹೊಗಳುಭಟರಿರಬೇಕು. ಅವರು ಹೇಳಿದ್ದಕ್ಕೆಲ್ಲಾ, “ಪ್ಚ, ಅಮೋಘ! ವಿಸ್ಮಯ! ಅದ್ಭುತ!” ಎಂದು ಬೆರಗಾಗುತ್ತಿರಬೇಕು.
ಏಳು ಮಹಾಪಾತಕಗಳು
ನಾರ್ಸಿಸಮ್ನ ಏಳು ಮಹಾಪಾತಕಗಳನ್ನು ಮನೋವಿಜ್ಞಾನಿಗಳು ಗುರುತಿಸುತ್ತಾರೆ.
ನಾಚಿಗೇಡಿತನ: ಸಾಮಾನ್ಯವಾಗಿ ಆತ್ಮರತಿಯ ವ್ಯಕ್ತಿಗಳು ಮುಕ್ತವಾಗಿ ಮತ್ತು ಅಭಿಮಾನದಿಂದ ನಾಚಿಗೇಡಿಯಾಗಿರುತ್ತಾರೆ. ನಾನೂಂದ್ರೆ ಏನು? ನಾನೂಂದ್ರೆ ಯಾರು? ನಾನು ಮನಸ್ಸು ಮಾಡಿದರೆ ಏನು ಮಾಡ್ತೇನೆ ಗೊತ್ತಾ?; ಈ ವಾಕ್ಯಗಳೆಲ್ಲಾ ಅವರವೇ. ಅವರು ತಾವು ಯಾವಾಗಲೂ ವಿಮರ್ಶಾತೀತವಾಗಿರಲು ಬಯಸುತ್ತಾರೆ. ತನ್ನಲ್ಲಿ ವಿಮರ್ಶೆ ಮಾಡಲೇನಿದೆ? ನನ್ನ ಟೀಕಿಸುವವನು ಅಥವಾ ವಿಮರ್ಶಿಸುವವನು ಖಂಡನೆ ಅರ್ಹನೆಂದು ಅವರ ಅಚಲ ನಂಬಿಕೆ. ತಾವು ಶ್ರೀಮಾನ್ ಅಥವಾ ಶ್ರೀಮತಿ ಪರ್ಫೆಕ್ಟ್. ಒಂದು ವೇಳೆ ಅವರ ಯಾವುದಾದರೂ ಕೆಲಸ ಖಂಡಿತವಾಗಿ ಖಂಡನೀಯ ಮತ್ತು ತಪ್ಪು ಎಂದು ನಿರೂಪಿಸಿಬಿಟ್ಟಿದ್ದೇ ಆದರೂ, ಅವರು ಹೇಳುವುದೇನೆಂದರೆ, “ಅಕಸ್ಮಾತ್, ಈ ಕೆಲಸ ತಪ್ಪಾಗಿರಬಹುದು.
ಆದರೆ ನನ್ನ ಉದ್ದೇಶವು ಉತ್ತಮವಾಗಿತ್ತು. ನಾನು ಒಳ್ಳೆಯ ಉದ್ದೇಶದಿಂದ ಮಾಡಿದ್ದು” ಎಂದು ಹೇಳುತ್ತಾರೆಯೇ ಹೊರತು, ತಾವು ಅಪರಾಧ ಪ್ರಜ್ಞೆಯಿಂದ ನರಳುವುದೂ ಇಲ್ಲ. ತಾವು ತಪ್ಪಿತಸ್ಥರೆಂದು ಒಪ್ಪಿಕೊಳ್ಳುವುದೂ ಇಲ್ಲ.
ಅಸಾಧ್ಯ ಸಾಧಕ: ನಾರ್ಸಿಸಿಸ್ಟ್ಗಳು ತಮ್ಮನ್ನು ತಾವು ಪರ್ಫೆಕ್ಟ್ ಎಂದು ನಂಬಿರುವ ಕಾರಣದಿಂದ ಇತರರಿಗೆ ಸಾಧ್ಯವಾಗದ ಅದ್ಭುತಗಳನ್ನು ತಾವು ಸೃಷ್ಟಿಸುತ್ತೇವೆಂದು ನಂಬಿರುತ್ತಾರೆ. ಇತರರನ್ನು ನಾಚಿಕೆಯಿಂದ ತಲೆ ತಗ್ಗಿಸುವಂತೆ ಮಾಡುತ್ತಾರೆಯೇ ಹೊರತು ತಮ್ಮ ಆತ್ಮಚಿತ್ರಣವನ್ನು ಕಿಂಚಿತ್ತೂ ಮುಕ್ಕಾಗಿಸಿಕೊಳ್ಳರು.
ಸೊಕ್ಕು: ಯಾರಾದರೂ ಅವರನ್ನು ಖಂಡಿಸಿದರೆ, ಟೀಕಿಸಿದರೆ ಅವರ ಉಸಿರಾಟ ವೇಗವನ್ನು ಪಡೆಯುತ್ತದೆ. ಸೊಕ್ಕು ಉಕ್ಕೇರುತ್ತದೆ. ಆ ಟೀಕೆಗಳನ್ನು ತುಂಬಾ ವ್ಯಕ್ತಿಗತವಾಗಿ ಅದನ್ನು ತೆಗೆದುಕೊಳ್ಳುವುದು ಮಾತ್ರವಲ್ಲದೇ ಇತರರಿಗೆ ಅವರ ಬಗ್ಗೆ ನಕಾರಾತ್ಮಕವಾಗಿ ಹೇಳುತ್ತಿರುತ್ತಾರೆ. ಅವರ ಚಾರಿತ್ರ್ಯವಧೆ ಮಾಡಲು ಹೇಸುವುದಿಲ್ಲ. ಅವರಿಗೆಂತಾದರೂ ಸಂಕಟ ಬಂದರೆ “ಅವರಿಗೆ ಹಾಗೇ ಆಗಬೇಕು” ಎಂದು ತೃಪ್ತಿಪಡುವ ಪ್ರಯತ್ನ ಮಾಡುತ್ತಾರೆ.
ಅಸೂಯೆ: ಇತರರ ಸಾಧನೆಗಳನ್ನು ಪ್ರಶಂಸಿಸುವುದು ಅವರಿಗೆ ಎಂದೂ ಆಗದು. ಇತರರೇನಾದರೂ ಸಾಧನೆ ಮಾಡಿದ್ದಾರೆಂದರೆ ಅವರ್ಯಾವುದೋ ಅಡ್ಡದಾರಿಯಿಂದ ಮೇಲೆದ್ದು ಬಂದಿರಬೇಕು, ಯಾವುದಾದರೂ ವಶೀಲಿ, ಲಂಚ ರುಶುವತ್ತುಗಳ ಪ್ರಭಾವವಿರಬೇಕು, ಅವರಿಗೇನು ಅವರಪ್ಪನ ಹತ್ತಿರ ದುಡ್ದು ಬೇಕಾದಷ್ಟಿದೆ ಮಾಡುತ್ತಾನೆ; ಹೀಗೆ, ಏನಾದರೊಂದು ಹೇಳಿಯೇ ತೀರುತ್ತಾರೆಯೇ ಹೊರತು ಮೆಚ್ಚುವುದಂತೂ ಇಲ್ಲ. ಅದ್ಯಾವ ಸೀಮೆ ಸಾಧನೆ ಎಂಬ ಉಪೇಕ್ಷೆಯು ಅಸೂಯೆಯ ಬಿಂಬವೇ ಹೊರತು ಮತ್ತೇನಿಲ್ಲ.
ಪರಾಕುಪ್ರಿಯ: ನಾರ್ಸಿಸಿಸ್ಟ್ಗಳು ಸಕಾರಣಕ್ಕೆ ಹೊರತಾದ ಬಿರುದುಬಾವಲಿಗಳನ್ನು ಹೊಂದುವುದಕ್ಕೆ ಇಷ್ಟಪಡುತ್ತಾರೆ. ಪಕ್ಕದ ರಸ್ತೆಯವರಿಗೆ ಅವರ ಬಗ್ಗೆ ತಿಳಿದಿರದಿದ್ದರೂ ತಾವು ಜಗದ್ವಿಖ್ಯಾತರು ಎಂದು ಅನ್ನಿಸಿಕೊಳ್ಳಲು ಆಶಿಸುತ್ತಾರೆ. ಅದನ್ನು ಉಳಿಸಿಕೊಳ್ಳಲು ಸದಾ ಹೆಣಗಾಡುತ್ತಿರುತ್ತಾರೆ. ಅದನ್ನು ಒಪ್ಪಿಕೊಳ್ಳದವರ ಬಗ್ಗೆ ಬಹಳ ಕೋಪವಿರುತ್ತದೆ.
ಪಟಾಲಂ ಪಡೆ: ತಮ್ಮ ಸುತ್ತಲೂ ಹೇಳಿದಂತೆ ಕೇಳಿಕೊಂಡಿರುವ ಒಂದಷ್ಟು ಜನರನ್ನು ಹೊಂದಿರುವಂತಹ ಮನಸ್ಥಿತಿ ಬಹಳ ಸಾಧಾರಣ. ಆ ಜನರು ಇವರಿಗೆ ಪರಾಕು ಹೇಳಲು ಮಾತ್ರವಲ್ಲದೇ, ಇವರ ಶ್ರೇಷ್ಟತೆ ಮತ್ತು ಹೆಗ್ಗಳಿಕೆಯ ಬಗ್ಗೆ ಜನಗಳಲ್ಲಿ ಜಾಗೃತಿಯನ್ನು ಉಂಟು ಮಾಡಬೇಕೆಂದು ಇವರ ಅಭಿಲಾಷೆ. ಸಾಧಾರಣರಲ್ಲದೇ ಇವರು ಮಹಾನ್ ಸಾಧಕರಾಗಿದ್ದರೂ, ಪ್ರಖ್ಯಾತರಾಗಿದ್ದರೂ ಇಂತಹ ಮನಸ್ಥಿತಿಯಲ್ಲೇ ಇರುತ್ತಾರೆ.
ಅವರೊಬ್ಬರು ಈ ನಾಡಿನ ಬಹುಪ್ರಖ್ಯಾತರು. ನಾನೂ ಮತ್ತು ಕೆಲವು ಯುವನಿರ್ದೇಶಕರ ತಂಡಕ್ಕೆ ಅವರು ಗೆಳೆಯರು. ನಾವೆಲ್ಲರೂ ಕೂಡಿ ಒಂದು ಸಂಸ್ಥೆಗೆ ಔಪಚಾರಿಕ ಭೇಟಿ ನೀಡಬೇಕಿತ್ತು. ಪ್ರಖ್ಯಾತರ ಗೆಳೆಯರೊಬ್ಬರೂ ನಮ್ಮೊಂದಿಗೆ ಬಂದಿದ್ದರು.
ಈ ನಮ್ಮ ತಂಡ ಸಾಮಾನ್ಯವಾಗಿ ಮಾತಾಡಿಕೊಂಡು ಬರುತ್ತಿದ್ದೆವು. ಪ್ರಖ್ಯಾತರ ಗೆಳೆಯ ನಮ್ಮ ತಂಡದ ಬಳಿಗೆ ಬಂದು ಹೇಳಿದರು, “ನೀವು ಮೊದಲು ಒಳಗೆ ಬೇಗ ಬೇಗ ಹೋಗಿ. ಅಲ್ಲಿ ಇರುವವರಿಗೆ ಹೇಳಿ, ‘ಸಾರ್ ಬಂದರು, ಸಾರ್ ಬಂದರು’ ಅಂತ. ಅಲರ್ಟ್ ಆಗಲಿ” ಎಂದು.
ಪ್ರಖ್ಯಾತರ ಮುಖವನ್ನು ನೋಡಿದರೆ ಅವರು ಸಹಜವಾಗಿ ಅಲರ್ಟ್ ಆಗುತ್ತಾರೆ. ಮೇಲೆದ್ದು ಬಂದು ಗೌರವಿಸುತ್ತಾರೆ, ಸ್ವಾಗತಿಸುತ್ತಾರೆ. ನಾವು ಹೋಗಿ ‘ಬಂದ್ರು ಬಂದ್ರು’ ಅಂತ ಹೇಳೋದೇನಿದೇಂತ ನಮ್ಮ ಧೋರಣೆ. ನಾವು ಅದಕ್ಕೆ ಜಾಣ ಮುಗ್ಧರಾಗಿ ‘ನೀವು ಹೇಳುವುದು ಹೇಗೆ ಮಾಡುವುದು ಎಂದು ತಿಳಿಯಲಿಲ್ಲ’ ಎಂಬಂತೆ ಪಿಳಪಿಳನೆ ನೋಡುತ್ತಿದ್ದೆವು. ಆಗ ನಗಲೂ ಆಗುತ್ತಿರಲಿಲ್ಲ. ನಾವುಗಳು ಆಮೇಲೆ ಮನಸೋಯಿಚ್ಚೆ ನಗಾಡಿಕೊಂಡೆವು. ಬಹುಶಃ ನಮ್ಮ ಹತ್ತಿರ ಮಾಡಿಕೊಂಡ ತಮ್ಮ ಗೆಳೆಯರ ಅಹವಾಲು ಆ ಪ್ರಖ್ಯಾತರಿಗೆ ತಿಳಿದಿರಲಿಲ್ಲ ಎನಿಸುತ್ತದೆ.
ಇರಲಿ, ಇಂತಹ ಪಟಾಲಂ ಪಡೆಯನ್ನು ಹೊಂದಿರುವಾಸೆ ಆತ್ಮರತಿಸಖರದು. ಅವರನ್ನು ಶೋಷಿಸುತ್ತಿದ್ದೇವೆ ಎಂಬ ಅರಿವೂ ಅವರಿಗಿರುವುದಿಲ್ಲ. ತಮಗಾಗಿ ಅವರು ಹಾಗೆ ಮಾಡಬೇಕಾಗಿರುವುದು ಅವರ ಧರ್ಮ ಎಂದು ಅವರು ಭಾವಿಸಿರುತ್ತಾರೆ.
ಸೀಮೆಯೊಳಗೆ ಬಂಧಿತರು: ಬಹಳ ಶೋಚನೀಯ ಸಂಗತಿಯೆಂದರೆ, ತಾವು ತಮ್ಮ ಸುತ್ತಲೂ ಒಂದು ಎಲ್ಲೆಯನ್ನು ಗೀಚಿಕೊಂಡು ತಮ್ಮನ್ನು ಸಂಕುಚಿತಗೊಳಿಸಿಕೊಳ್ಳುತ್ತಿದ್ದೇವೆ ಎಂಬ ಅರಿವು ಅವರಿಗೆ ಇರದೇ ಹೋಗುವುದು. ಅವರು ತಮ್ಮ ಮತ್ತು ಇತರರ ನಡುವೆ ಕಂದಕಗಳನ್ನು ತೋಡಿಕೊಳ್ಳುತ್ತಿದ್ದೇವೆ ಎಂದು ಅವರ ಅರಿವಿಗೆ ಬಾರದೇ ಹೋಗುವುದು. ಒಂದು ವೇಳೆ ಅವರು ಖ್ಯಾತನಾಮರಾಗಿದ್ದರೆ, ಉನ್ನತ ಅಧಿಕಾರಸ್ಥರಾಗಿದ್ದರೆ ಅನಿವಾರ್ಯವಾಗಿ ಅವರಿಂದ ಕೆಲಸಗಳಾಗಬೇಕಾದವರು ತಗ್ಗುವ ಬಗ್ಗುವ ನಟನೆ ಮಾಡುತ್ತಿರುತ್ತಾರೆ.
ಕೊನೆಗೊಮ್ಮೆ ಅವರಿಂದ ಏನೂ ಕೆಲಸ ಆಗುವ ಅಗತ್ಯ ಇಲ್ಲದೇ ಹೋದಾಗ ಅವರನ್ನು ತಟ್ಟನೆ ನಿರ್ಲಕ್ಷಿಸಿಬಿಡುತ್ತಾರೆ. ಸಂಪೂರ್ಣ ಬಿಟ್ಟುಬಿಡುತ್ತಾರೆ. ತಮ್ಮ ಸುತ್ತಲೂ ವಂದಿಮಾಗದರನ್ನು, ಪಟಾಲಮನ್ನು ಕಟ್ಟಿಕೊಂಡು ತಿರುಗಾಡುತ್ತಿದ್ದವರಿಗೆ ಒಮ್ಮಿಂದೊಮ್ಮೆಲೆ ಆಘಾತವಾಗುತ್ತದೆ. ತಮ್ಮ ಅಹಂಕಾರಕ್ಕೆ ಆಹಾರ ಸಿಗದೇ ಮಾನಸಿಕವಾಗಿ ಕೃಶವಾಗುತ್ತಾರೆ. ಖಿನ್ನತೆಗೆ ಜಾರುತ್ತಾರೆ. ಅಂತಹ ಖಿನ್ನತೆಗಳಿಂದ ಹೊರಬರಲಾಗದೇ ಅನೇಕ ರೀತಿಯ ವ್ಯಸನಗಳಿಗೆ ತುತ್ತಾಗುತ್ತಾರೆ. ಕೆಲವೊಮ್ಮೆ ಆತ್ಮಹತ್ಯೆಗೆ ಶರಣಾಗಲೂಬಹುದು.
ಈ ಮಾನಸಿಕ ಸಮಸ್ಯೆ ಬಹಳಷ್ಟು ಜನರಲ್ಲಿರುವುದರಿಂದ ವ್ಯಕ್ತಿಗತವಾಗಿಯೂ ಮತ್ತು ಸಾಮಾಜಿಕವಾಗಿಯೂ ಬಹಳ ಸಂಘರ್ಷಗಳು ಮತ್ತು ಸಮಸ್ಯೆಗಳು ಉಂಟಾಗುತ್ತಿರುತ್ತವೆ. ಇದನ್ನು ಓದಿದಾಗ ನನ್ನಲ್ಲೂ ಇಂತಹ ಸಮಸ್ಯೆಯೊಂದಿದೆ ಎಂದು ಯಾರಿಗಾದರೂ ಅನ್ನಿಸಿದರೆ, ಅದು ಬಹಳ ಒಳ್ಳೆಯ ಸೂಚನೆ. ಏಕೆಂದರೆ, ಯಾವುದೇ ಮಾನಸಿಕ ಸಮಸ್ಯೆಯ ಚಿಕಿತ್ಸೆಯ ಕಾರ್ಯ ಪ್ರಾರಂಭವಾಗುವುದು ‘ನನಗೆ ಈ ಸಮಸ್ಯೆ ಇದೆ’ ಅರಿವಿನಿಂದ.
ಅದೇ ಪರಿಹಾರಕ್ಕೆ ಮೊದಲ ಹೆಜ್ಜೆ. ಸಾಮಾನ್ಯವಾಗಿ ಮಾನಸಿಕ ಸಮಸ್ಯೆಯು ತೀವ್ರವಾಗಿರುವವರು ತಮಗೆ ಮಾನಸಿಕ ಸಮಸ್ಯೆ ಇದೆ ಎಂದು ಒಪ್ಪಿಕೊಳ್ಳುವುದೇ ಇಲ್ಲ. ಇತರರಲ್ಲಿ ಅದು ಇದೆ ಎಂದು ಗುರುತಿಸಲು ಯತ್ನಿಸುತ್ತಿರುತ್ತಾರೆ. ತಾವು ಮಾತ್ರ ಸಂಪೂರ್ಣ ಆರೋಗ್ಯದಿಂದ ಇದ್ದೇವೆ ಎಂದುಕೊಂಡಿರುತ್ತಾರೆ. ಮನೋರೋಗಕ್ಕೆ ಮದ್ದಿಲ್ಲ ಎಂಬ ಗಾದೆಯನ್ನು ಒಪ್ಪುವುದು ಬೇಡ.ಮನೋರೋಗಕ್ಕೆ ಮದ್ದಿದೆ ಎಂಬ ಭರವಸೆ ಮತ್ತು ವಿಶ್ವಾಸದೊಡನೆ ಆತ್ಮವಿಮರ್ಶೆಗೊಳಗಾಗುವುದು ಈ ಸಮಸ್ಯೆಗೆ ಪರಿಹಾರಕ್ಕೆ ದಾರಿ ಕಾಣುವ ಪ್ರಾರಂಭ.
(ಮುಂದುವರಿಯುವುದು)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು
~ ಯೋಗೇಶ್ ಮಾಸ್ಟರ್
ಮೆಟ್ಟಿಲುಗಳ ಮೇಲೆ ನಿಂತು ದಿಟ್ಟಿಸುತ್ತಿರುವವನ ನೋಡುಗರು ಏನೆಂದು ತಿಳಿದಾರು? ಹತ್ತುತ್ತಿರುವನೆಂದೋ, ಇಳಿಯುತ್ತಿರುವನೆಂದೋ? ಯಾರೇನಾದರೂ ಅಂದುಕೊಳ್ಳಲಿ ಹೊರಗೆ ಹತ್ತುತ್ತಿರುವವನು ಇಳಿಯುತ್ತಿರಬಹುದು. ಇಳಿಯುತ್ತಿರುವವನು ಹತ್ತುತ್ತಿರಬಹುದು.
ಈಗ ಯಾರೂ ನೋಡುತ್ತಿಲ್ಲ. ನಾನು ಹತ್ತುತ್ತಿರುವೆನೋ ಇಳಿಯುತ್ತಿರುವೆನೋ ಯಾರೂ ನೋಡುತ್ತಿಲ್ಲ. ಯಾರೊಬ್ಬರೂ ಇಲ್ಲದಿರುವಾಗಲೂ ನಾನು ನನಗೆ ಪ್ರಾಮಾಣಿಕವಾಗಿ ಇರದಿದ್ದರೆ? ‘ಆತ್ಮಾರಾಮ್, ಈಗೇನು ನೀನು ಏರುತ್ತೀಯೋ, ಇಳಿಯುತ್ತೀಯೋ?’ ಬೇರೊಬ್ಬರು ಕೇಳುವ ಪ್ರಶ್ನೆಗಳಿಗೆ ಉತ್ತರಿಸಿಬಿಡಬಹುದು. ನಾನೇ ಹಾಕಿಕೊಳ್ಳುವ ಪ್ರಶ್ನೆಗೆ ನಾನೇ ಉತ್ತರಿಸುವ ಧೈರ್ಯ ಅಷ್ಟು ಸುಲಭದಲ್ಲಿ ಬರುವುದಿಲ್ಲ.
ನೂರಾರು ಆಪ್ತ ಸಮಾಲೋಚನೆಗಳಲ್ಲಿ ಸಾವಿರಾರು ಪ್ರೊಜೆಕ್ಟಿವ್ ಪ್ರಶ್ನೆಗಳನ್ನು ಕೇಳಿದ್ದೇನೆ. ನನಗೆ ನಾನೇ ಪ್ರೊಜೆಕ್ಟ್ ಮಾಡುವ ಪ್ರಶ್ನೆಯನ್ನು ನಾನು ಹಾಕಿಕೊಳ್ಳಲು ಇದುವರೆಗೂ ಆಗಿಲ್ಲ.
ಇವತ್ತು ಹಾಕಿಕೊಂಡೆ. ಅದ್ಯಾಕೋ ಮೆಟ್ಟಿಲುಗಳು ನನ್ನ ಪ್ರಶ್ನಿಸಿದವು. ಹೇ ಆತ್ಮಾರಾಮ್, ಈಗೇನು? ನೀನು ಏರುತ್ತೀಯೋ? ಇಳಿಯುತ್ತೀಯೋ?’ ಏರಿದ್ದೇನೆಂದುಕೊAಡು ಇಳಿದಿರುವ ನಾನು ಹೇಗೆ ಉತ್ತರಿಸಲಿ? ಮೆಲ್ಲನೆ ಕುಳಿತುಬಿಟ್ಟೆ.
ಹೌದು, ಈ ಮೆಟ್ಟಿಲುಗಳು ಬರೀ ಏರಲಲ್ಲ, ಇಳಿಯಲೂ ಅಲ್ಲ. ಕುಳಿತುಕೊಳ್ಳಲೂ ಹೌದು.
ಒಳಗಿರುವ ಮಾತುಗಳು ಹೊರಗೆಡವಲೂ ಅಲ್ಲ, ಒಳಗೆ ನುಂಗಿಕೊಳ್ಳಲೂ ಅಲ್ಲ. ಆದರೆ ಅವು ಬಹುಕಾಲದಿಂದ ಕಾಯುತ್ತಲೇ ಇವೆ. ಕಾದು ಕಾದು ಬಿಸಿಯೇರಿದೆ. ಈಗ ಹೊರಗೆಡಬೇಕು ಅಥವಾ ನುಂಗಬೇಕು. ಹಾಗೆಯೇ ತಣ್ಣಗಾಗುವ ಬಗೆಯೇನಾದರೂ ಇದೆಯಾ?
ನೋಡುಗರ ಕಣ್ಣಲ್ಲಿ ನಾನೊಂದು ಪರಮ ಶಾಂತಿ. ಆದರೆ ಅದು ನನ್ನೊಳಗೆ ಬರೀ ಭ್ರಾಂತಿ. ಒಳಗೆ ಪದೇ ಪದೇ ಪ್ರತಿಧ್ವನಿಸುತ್ತಿರುವ ಸದ್ದುಗಳ ಸೊಲ್ಲಡಗಿಸಿ ಸುಮ್ಮನಿರಿಸಲು ಹೇಗಾದೀತು? ಆಪ್ತ ಸಮಾಲೋಚನೆಗೆ ಬಂದವರು ಇದನ್ನು ಹೇಳಿದರೆ, “ಪದೇ ಪದೇ ಆಲೋಚನೆಗಳು ಬರುತ್ತಿದ್ದರೆ ಅದನ್ನು ಚಿಂತಾಚಕ್ರ ಅಥವಾ ಡಿumiಟಿಚಿಣioಟಿ ಎನ್ನುತ್ತೇವೆ. ಅದರಿಂದ ನೀವು ಹೊರಗೆ ಬರಬೇಕು” ಎಂದು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟು ಕಳುಹಿಸುತ್ತಿದ್ದೆ. ಆದರೆ ನನಗೆ ನಾನು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟುಕೊಳ್ಳಲು ಆಗದು.
ಸದ್ದಿಲ್ಲದ ಹಗಲಲ್ಲಿ, ಸದ್ದಡಗಿದಾಗ ರಾತ್ರಿಯಲ್ಲಿ ಹಳೆಯ ಮಾತುಕತೆಗಳು, ತಪುö್ಪಗಳು, ಬೇಸರಗಳು, ಪಶ್ಚಾತ್ತಾಪಗಳು ಮತ್ತು ವೈಫಲ್ಯಗಳು ಹಿಂದೆ ಹಿಂದೆಯೇ ಕಡಲ ತಡಿಗೆ ಬಂದಪ್ಪಳಿಸುವ ತಡೆಯಲಾಗದ ಅಲೆಗಳಾಗಿರುತ್ತವೆ. ಬೆಳಗಾದಾಗ ಗತ್ಯಂತರವಿಲ್ಲದೇ ಮಾಡುವ ಗದ್ದಲದಲ್ಲಿ ರಾತ್ರಿಗಾಗಿ ಕಾಯುತ್ತಾ ಒಳಗವಿತಿರುವ ಹೆಗ್ಗಣಗಳಂತೆ, ಜಿರಳೆಗಳಂತೆ ಅದೆಲ್ಲೋ ಬಿದ್ದಿರುತ್ತವೆ. ರಾತ್ರಿಯಾದರೆ ಸಾಕು ಮೆದುಳೆಂಬ ಒಡಕಲು ಪ್ರೊಜೆಕ್ಟರ್ ತನ್ನ ಮಾಸಲು ಸಿನಿಮಾವನ್ನು ತಂತಾನೆ ತೋರಿಸಲಾರಂಭಿಸುತ್ತವೆ.
ಅವರಿಗೆ ಇವರಿಗೆ ನಾನು ಹೇಳುವುದು ಅದೆಷ್ಟು ಕಪಟತನದ್ದು!
‘ಇದು trap of overthinking. ನೀವು ಹೊರಗೆ ಬರಬೇಕು.’
ನನಗೇ ಅವನ್ನು ನೋಡಿಕೊಳ್ಳಲು ಆಗಿಲ್ಲ. ನೋಡಿಕೊಳ್ಳಲು ಆಗಿಲ್ಲ ಎನ್ನುವುದಕ್ಕಿಂತ ನೋಡಿಕೊಳ್ಳಲು ಭಯ. ನನಗೆ ನನ್ನ ಮೇಲೆಯೇ ಜಿಗುಪ್ಸೆ ಬಂದುಬಿಟ್ಟೀತೆAಬ ಭಯ. ಆದರೆ ನೋಡಿಕೊಂಡರೆ ಬಾಧೆ ನಿವಾರಣೆಯಾಗಬಹುದು. ಚಿಂತಾಚಕ್ರ ತಿರುಗುತ್ತಿದ್ದಂತೆ, ಬಹುಕಾಲ ತಿರುಗುತ್ತಲೇ ಇದ್ದಂತೆ ಸವೆಯುವುದು. ಆ ಸವಕಳಿ ಚಿಂತಾಚಕ್ರವನ್ನು ಇಲ್ಲವಾಗಿಸದು. ಆದರೆ ಅದು ಸುತ್ತಲು ಮಧ್ಯದ ಕೀಲಾಗಿರುವ ನನ್ನ ಬಳಲಿಸುವುದು.
ಆ ಬಳಲಿಕೆಯೇ ನನ್ನ ವಯಸ್ಸಿಗಿಂತ ಹೆಚ್ಚು ಆಯಸ್ಸಾದಂತೆ ಕಾಣಿಸುವುದು. ಇರುವುದಕ್ಕಿಂತ ದೇಹ ಭಾರವಾಗಿರುವುದು.
ಹೌದಲ್ಲಾ, ಏರುತ್ತಲೋ, ಇಳಿಯುತ್ತಲೋ ಹೆಣಗಾಡುವ ಬದಲು ಕುಳಿತಾದ ಅಂದೆತದ್ದೋ ಪ್ರಶಾಂತತೆ ಒದಗಿದೆ ಇಂದು! ನನಗೆ ನಾನೇ ಹಳೆಯ ಸ್ನೇಹಿತನಾಗಿ ಕುಳಿತುಕೊಂಡು ನನ್ನದೇ ಮಾತುಗಳಿಗೆ ನಾನೇ ಕಿವಿಯಾಗುವ ಸರತಿ ಇಂದು ಒದಗಿತೇ?
ನನಗೆ ನಾನೇ ಹೇಳಿಕೊಳ್ಳುವುದು ಪರಕೀಯವೆನ್ನಿಸಿದರೂ ಒಂದಿಷ್ಟು ಉಸಿರಾಡಲು ಸರಾಗವೆನಿಸಿದೆ. ಕೈ ಮುಷ್ಟಿಗಟ್ಟಿದರೂ ಒಳಗೇ ಸಡಿಲವಾಯಿತು. ಮಡಿಸಿದ ಮೊಣಕೈ ತೊಡೆಯ ಮೇಲೆ ಒತ್ತುವುದನ್ನು ನಿಲ್ಲಿಸಿ ಹಗುರವಾಗಿ ಹತ್ತಿಯಂತೆ ಊರಿತು. ಮಧ್ಯಾಹ್ನದಲ್ಲೂ ತಂಗಾಳಿಯು ಮುಖಕ್ಕೆ ಮುತ್ತಿಡತೊಡಗಿತು.
ನಾಳೆ ಈ ಚಿಂತಾಚಕ್ರ ಮತ್ತೆ ತಿರುಗಣಿಯಾಗಬಹುದೇನೋ. ಆದರೆ ಚಿಂತೆಗಳ ನಡುನಡುವೆ ಒಂದಿಷ್ಟು ಉಸಿರುತೆಗೆದುಕೊಳ್ಳಲು ಸಾಧ್ಯವಾಗಿದ್ದು, ಏರುವುದನ್ನು, ಇಳಿಯುವುದನ್ನು ಬಿಟ್ಟು ಈ ಮೆಟ್ಟಿಲುಗಳ ಮೇಲೆ ಕೂತಿದ್ದಕ್ಕೆ.
‘ಹೌದು ಕಣೋ ಆತ್ಮಾ, ಹೌದು!’

ಅಂತರಂಗ
ಡಾ. ಆತ್ಮಾರಾಮನ ಆತ್ಮನಿವೇದನೆ ; ಒಳಗನ್ನಡಿಯಲ್ಲಿ ಮೌನದ ಮುಖ
~ಯೋಗೇಶ್ ಮಾಸ್ಟರ್, ಚಿಂತಕರು
ಆಪ್ತ ಸಮಾಲೋಚಕ ಮತ್ತು ಮನೋವೈದ್ಯ
ಹಾಗಂತಿರುವ ನನ್ನ ಮನೆಯ ಮುಂದಿನ ನನ್ನ ಪರಿಚಯ. ಅದನ್ನೇ ನಾನೆಂದು ತಿಳಿದಿರುವ ಹೊರಗಿನವರಿಗೆಲ್ಲಾ ನನ್ನೊಳಗಿರುವ ಅಪರಿಚಿತನ ಹೇಗೂ ಕಾಣಲಾಗದು.
ಲೋಕ ಕಾಣುವ ಅಥವಾ ನಾನು ತೋರುವ ಮುಖದ ಮುಸುಕನ್ನು ಸರಿಸಿ ಇಣುಕುವಷ್ಟು ಯಾರಿಗಾದರೂ ಅದೆಷ್ಟು ಬಿಡುವಿರುವುದು! ಪರದೆಯ ಮೇಲಿನ ಡಾ. ಆತ್ಮಾರಾಮನ ನೆರಳಿನಾಟವನ್ನು ಮೆಚ್ಚುವರು, ಹೊಗಳುವರು, ತೆಗಳುವರು, ತಿರಸ್ಕರಿಸುವರು; ಅವರವರ ಕಣ್ಣುಗಳ ಅಭಿರುಚಿಗೆ ತಕ್ಕಂತೆ.
ಪರರ ರುಚಿಗೆ ಎಟಕುವುದು ಚಹರೆಗಳೇ ತಾನೇ! ಅವರ ಕಣ್ಣುಗಳಿಂದಲೇ ನನ್ನ ನಾನು ಕಂಡುಕೊಳ್ಳಲು ಅಥವಾ ಕಾಣಿಸಿಕೊಳ್ಳಲು ಸಾಕಾಗಿ ನನ್ನ ಕಣ್ಣುಗಳು ಮುಚ್ಚಿಕೊಂಡವು. ಅದೆಷ್ಟೋ ಹೊತ್ತು ಹಾಗಿದ್ದೆನೋ!
ಚಹರೆಗಳ ನೆರಳುಗಳನ್ನು ನುಂಗಿಕೊAಡ ಕಣ್ಣೊಳಗಿನ ಕತ್ತಲೆಯಲ್ಲಿ ಬೆತ್ತಲೆಯಾಗಿರುವುದು ಸುಖ. ಅದು ನಿರಾಳತೆಯ ಸುಖ. ತರಾವರಿ ತೊಡುಗೆಗಳ ತೂಕವನಿಳಿಸಿಕೊಂಡ ನಿರಾತಂಕದ ನೆಮ್ಮದಿ. ಕತ್ತಲು; ಅದೆಷ್ಟು ಆಳ! ಗೂಢತೆಗಳ ಮೇಳವದೆಷ್ಟಿದ್ದರೂ ತೋರ್ಪಡಿಸಿಕೊಳ್ಳುವ ಕಾತುರವಿಲ್ಲದ ನಿರಹಂಕಾರದ ನಿರಾಳತೆ!
ಬೆಳಕಿನದೇ ಸಮಸ್ಯೆ. ಅದರಲ್ಲದೆಷ್ಟು ಬಣ್ಣಗಳು, ಬಣ್ಣನೆಗಳು. ವ್ಯತ್ಯಾಸಗಳು, ವ್ಯತ್ಯಯಗಳು. ಸಮೀಕರಣಗಳು, ಅಸಮಾನತೆಗಳು. ಉಪಮೆಗಳು, ಉದಾಹರಣೆಗಳು. ಸಾಧಾರಣಗಳು, ಅಸಾಧರಣಗಳು. ಅಸೂಯೆಗಳು, ಆಯಾಸಗಳು. ಕತ್ತಲು ನೆಮ್ಮದಿ. ಮುಚ್ಚಿರುವ ಕಣ್ಣೊಳಗಿನ ಕತ್ತಲಿನಲ್ಲಿ ಕಾಣತೊಡಗಿದ ನನ್ನ ಬಿಂಬವನ್ನು ನೋಡುತ್ತಲೇ ಕುಳಿತುಬಿಟ್ಟೆ. ಹೌದಲ್ಲಾ, ಇಷ್ಟು ಕಾಲ ಮುಚ್ಚಿಟ್ಟಿದವರೇ ಈಗ ಬಿಚ್ಚಿಡುತ್ತಿದ್ದಾರೆ.
ಹೌದು, ಮನಸ್ಸೆಂಬುದೇ ಹಾಗೆ. ಅದು ತನಗೆ ತಾನೇ ತೊಂದರೆಯನ್ನು ಉಂಟುಮಾಡಿಕೊಳ್ಳುತ್ತದೆ. ತಾನೇ ಗೋಗರೆಯುತ್ತದೆ. ತಾನೇ ಸಹಾಯವನ್ನು ನಿರಾಕರಿಸುತ್ತದೆ. ತಾನೇ ಗೋಳಿಡುತ್ತದೆ. ತಾನೇ ಸಂತೈಸುತ್ತದೆ.
ತಿಕ್ಕಲು, ತಾನೇ ಹಾಳು ಮಾಡುವುದು, ತಾನೇ ಗೋಳಿಡುವುದು, ತಾನೇ ಸರಿ ಮಾಡುವುದು. ಈಗ ಸರಿಮಾಡಿಕೊಳ್ಳುವ ಮಗ್ಗುಲಿಗೆ ತಿರುಗಿಕೊಂಡಿದೆ. ಸರಿ ಹೋಗಿಬಿಡಲಿ.
ಸರಿ ಹೋಗುವುದೋ ಬಿಡುವುದೋ, ಸರಿಯಿಲ್ಲ, ಸರಿ ಮಾಡಬೇಕಾಗಿದೆ ಅಂತ ಗೊತ್ತಾಯಿತಲ್ಲಾ ಅಷ್ಟೇ ಸಾಕು.
ರೋಗವಿದೆ ಎಂಬ ಅರಿವು ಬಹುದೊಡ್ಡ ಉಪಶಮನ. ರೋಗವನ್ನೇ ಆರೋಗ್ಯವೆಂದು ಭಾವಿಸಿದ್ದು, ಈಗ ರೋಗ ಎಂದು ತಿಳಿಯಿತಲ್ಲಾ, ಅದೇ ಗುಣಮುಖವಾಗುವ ಮುನ್ಸೂಚನೆ.
ಇಷ್ಟೂ ದಿನಗಳ ಕಾಲ ಕನ್ನಡಿಯೊಳಗೆ ಮುಖ ನೋಡಿಕೊಳ್ಳುತ್ತಿದ್ದದ್ದು, ಇತರರಿಗೆ ಹೇಗೆ ಕಾಣಿಸುತ್ತೇನೆ, ಹೇಗೆ ಕಾಣಿಸಬೇಕು ಎಂದು. ಆದರೆ ಇಂದು ಕತ್ತಲಿನ ಕನ್ನಡಿಯಲ್ಲಿ ಕಾಣುತ್ತಿರುವ ಮುಖದ ಒಳಗಿನ ಮೌನ ತನ್ನ ಗುರುತಿನ ಪರದೆಯನ್ನು ಹರಿಯುತ್ತಿದೆ. ಯಾವ ಅಡಿಗಿದ್ದ ಮೌನ ನನ್ನಾತ್ಮದ ಕವಚವಾಗಿತ್ತೋ ಅದು ಕಾರಾಗೃಹವೆನಿಸಿ ಉಸಿರುಕಟ್ಟಿಸಿದ್ದು ಒಳ್ಳೆಯದೇ ಆಯಿತು.
ಮೌನ ದನಿಯಾಗುತ್ತಿದೆ. ದನಿ ಬನಿಯಾಗುತ್ತಿದೆ.
ಹಾಗಾಗಿಯೇ ಬೆಳಕಿನಲ್ಲಿ ವಿವಿಧ ಬಣ್ಣಗಳನ್ನು ಹಚ್ಚಿ ಬಣ್ಣಿಸಿದ್ದ ಎಲ್ಲಾ ಸಂಬAಧಗಳು, ಸಂಗತಿಗಳು, ಸಂವಹನಗಳು, ಸಂಘರ್ಷಗಳು ಈಗ ನೆನಪಿನ ನೆರಳುಗಳಾಗಿ ಆಳವಾದ ಕತ್ತಲಲ್ಲಿ ಬಣ್ಣ, ಬಣ್ಣನೆಗಳನ್ನು ಕಳೆದುಕೊಂಡಿವೆ.
ಅವರಿವರ ಮನಸ್ಸುಗಳ ಮಸುಕು ಮಾಡುವ ಮುಸುಕುಗಳ ತೆಗೆಯಲು ಸಹಕರಿಸುತ್ತಿದ್ದವನಿಗೆ ಸ್ವಸಹಾಯ ಮಾಡಿಕೊಳ್ಳಲು ಅದೇ ಮನಸ್ಸು ಮನಸ್ಸು ಮಾಡಿದೆ. ಆಗಲಿ, ಅದೂ ಆಗಿ ಹೋಗಲಿ.
ಮನೋವೈದ್ಯ ತನ್ನೊಳಗಿನ ರೋಗವನ್ನು ಪತ್ತೆ ಮಾಡಿಕೊಳ್ಳಲಿ. ಆಪ್ತ ಸಮಾಲೋಚಕ ತನ್ನಿರುವಿಗೆ, ತನ್ನಾಳಕೆ ಒಂದಿಷ್ಟು ಕಾಲ ಆಪ್ತನಾಗಿರುವ ಅವಕಾಶವನ್ನು ದಕ್ಕಿಸಿಕೊಳ್ಳಲಿ. ಮೌನವನ್ನು ಓದುವ ಓರಗೆಯವರಿದ್ದಾರೆ. ಓದಲಿ.
ವೈದ್ಯನೊಬ್ಬ ತಾನು ರೋಗಿಯಾಗಿರಲಿಲ್ಲ, ಅಥವಾ ತನಗೆ ರೋಗ ಬರುವುದಿಲ್ಲ ಎನ್ನುವುದು ಆತ್ಮವಂಚನೆ. ತನಗೆ ತಾನು ವಂಚಿಸಿಕೊಳ್ಳುವವನು ಜಗತ್ತಿನ ಯಾರೊಂದಿಗೆ ವಿಶ್ವಾಸವನ್ನು ಸಂಚಯ ಮಾಡಿಯಾನು!
ಮತ್ತೆ ಸಿಕ್ಕಿದನವನು ಮೌನದಲಿ
ಕಳೆದಿದ್ದವನು ಗದ್ದಲದಲಿ
ಗಾಯಗಳು ಮರೆತಿವೆ
ನೋವಿಲ್ಲದ ಕಲೆಗಳ ಹಿಂದೆ
ಪ್ರತಿ ಉಸಿರು ಆಸೆಗಳ ಬಸಿರು
ಹೆರಲಾಗದೆ ಘನವಾದ ಕಣ್ಣೀರು
ಕರಗುವುದೊಮ್ಮೆ ಹೆಪುö್ಪಗಟ್ಟಿದ ಕಾರ್ಮೋಡ
ಸುರಿವುದಲ್ಲಿ ಒಳಗಣ್ಣಿಂದ ಮಳೆಯು ನೋಡ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ದಿಮಾಗಿ ನಕ್ಸಲ್-ನಗರ ನಕ್ಸಲ್
~ರಹಮತ್ ತರೀಕೆರೆ, ಚಿಂತಕರು
ಕಾರ್ನಾಡರಲ್ಲಿ ನನಗೆ ಮೊದಲಿಂದಲೂ ವೈಯಕ್ತಿಕ ಸಂಪರ್ಕ ಇರಲಿಲ್ಲ. ಅನಂತಮೂರ್ತಿ ಅವರಂತೆ ಅವರು ಕಿರಿಯ ಲೇಖಕರ ಜತೆ ನಂಟಿರಿಸಿಕೊಂಡವರಲ್ಲ. ಯಾರಿಗಾದರೂ ಮುನ್ನುಡಿ ಬರೆದಿದ್ದೂ ನನಗೆ ತಿಳಿದಿಲ್ಲ. ತಾವಾಯಿತು ತಮ್ಮ ಬರೆಹ, ಸಿನಿಮಾ ಆಯಿತು ಎಂದಿದ್ದವರು. ಮಹಾರಾಷ್ಟ್ರದಲ್ಲಿ ಹುಟ್ಟಿ, ಜೀವಿತದ ಬಹುಕಾಲ ಕರ್ನಾಟಕದ ಹೊರಗಿದ್ದ ಅವರು, ಕರ್ನಾಟಕದ ಸಾರ್ವಜನಿಕ ಕಾರ್ಯಕ್ರಮಗಳಲ್ಲೂ ಹೆಚ್ಚು ಕಾಣಿಸಿದವರಲ್ಲ. ಸಮಕಾಲೀನರಾದ ತೇಜಸ್ವಿ ಲಂಕೇಶ್ ಅನಂತಮೂರ್ತಿ ಅವರಂತೆ ಪಬ್ಲಿಕ್ ಇಂಟಲೆಕ್ಚುವಲ್ ಕೆಲಸವನ್ನು ಮೈಮೇಲೆ ಹಾಕಿಕೊಂಡು, ಕರ್ನಾಟಕದ ಕಷ್ಟದ ದಿನಗಳಲ್ಲಿ ತಮ್ಮ ಮಾತು ಭಾಷಣ ಬರೆಹಗಳಿಂದ ಜನಾಭಿಪ್ರಾಯ ರೂಪಿಸಿದವರಲ್ಲ.
ಹೀಗಿದ್ದ ಕಾರ್ನಾಡರು ಬಾಳಿನ ಕೊನೆಯ ವರ್ಷಗಳಲ್ಲಿ ಆಶ್ಚರ್ಯಕರವಾಗಿ ಬದಲಾದರು; ಸಾರ್ವಜನಿಕ ಮಹತ್ವದ ಪ್ರಸಂಗಗಳಲ್ಲಿ ಮಾತಾಡಿದರು. ಹಠಬಿದ್ದಂತೆ ಬೀದಿಗಿಳಿದರು. ಈ ರೂಪಾಂತರಕ್ಕೆ ಕಾರಣ, ಪ್ರಭುತ್ವಗಳು ರಾಜಕೀಯ ಸೈದ್ದಾಂತಿಕ ಭಿನ್ನಮತಗಳನ್ನು ದಮನಿಸುವ ನಡೆಗಳಿರಬಹುದು; ಅನಂತಮೂರ್ತಿ ತೇಜಸ್ವಿ ಲಂಕೇಶ್ ತೀರಿಕೊಂಡ ಬಳಿಕ, ಉಂಟಾದ ರಿಕ್ತತೆ ಅವರನ್ನು ಈ ಹೊಸ ಪಾತ್ರ ನಿರ್ವಹಿಸುವಂತೆ ಆಹ್ವಾನಿಸಿರಬಹುದು. ಅವರು ತಮ್ಮ ಮಾತು, ಕೃತಿ, ಕ್ರಿಯೆಗಳಲ್ಲಿ ಭಾರತವನ್ನು ಆವರಿಸುತ್ತಿರುವ ಮತೀಯತೆ ಕುರಿತು ವ್ಯಗ್ರರಾಗಿದ್ದರು.
ಅವರು ಮಾಡಿದ ಸಾರ್ವಜನಿಕ ಪ್ರತಿರೋಧದ ಪ್ರಕರಣಗಳನ್ನು ಗಮನಿಸಬೇಕು. ಬಾಬರಿ ಮಸೀದಿಯ ಧ್ವಂಸವನ್ನು ವಿರೋಧಿಸಿದ್ದು; ನೈಪಾಲರ ಬಲಪಂಥೀಯವಾದ ಬೆಂಬಲಿಸುವ ನಿಲುವನ್ನು ಖಂಡಿಸಿದ್ದು; ಬಾಬಾಬುಡನಗಿರಿ ಚಳುವಳಿಯಲ್ಲಿ ಭಾಗವಹಿಸಿದ್ದು; ಟಿಪ್ಪು ನೆನಪಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು; ಟಿಪ್ಪು ಕುರಿತು ನಾಟಕ ಬರೆದಿದ್ದು; ಎಂ. ಎಫ್. ಹುಸೇನರ ಸೃಜನಶೀಲತೆ ಪರವಾಗಿ ನಿಂತಿದ್ದು; ಗೋರಕ್ಷಣೆ ಹೆಸರಲ್ಲಿ ನಡೆಯುತ್ತಿರುವ ಉಪಟಳ ವಿರೋಧಿಸಿ `ನಮ್ಮ ಆಹಾರ ನಮ್ಮ ಹಕ್ಕು’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು. ಇಲ್ಲಿನ ಕೊನೆಯ ಕಾರ್ಯಕ್ರಮದಲ್ಲಿ ಅವರೊಟ್ಟಿಗೆ ಅನಂತಮೂರ್ತಿಯವರೂ ಇದ್ದರು. ಭಾರತದಲ್ಲಿ ಇಬ್ಬರು ಜ್ಞಾನಪೀಠ ಲೇಖಕರು ಇಂತಹದೊಂದು ಸಾರ್ವಜನಿಕ ಪ್ರತಿರೋಧದ ಕಾರ್ಯಕ್ರಮದಲ್ಲಿ ಒಟ್ಟಿಗೆ ಭಾಗವಹಿಸಿದ್ದು ಅಪೂರ್ವ ಸಂಗತಿ.
ನನಗೆ ಅವರ ಜತೆ ಮೊದಲ ಮುಖಾಬಿಲೆ ಆಗಿದ್ದು ಬಾಬಾಬುಡನಗಿರಿಗೆ ಮಾಡಿದ ಪಯಣದಲ್ಲಿ. ಸೂಫಿಗಳ ಮೇಲೆ ತುಸು ಅಧ್ಯಯನ ಮಾಡಿದವನೆಂದು ನನ್ನನ್ನು ಅವರೊಟ್ಟಿಗೆ ಕೂರಿಸಲಾಗಿತ್ತು. ಅವರ ಗಂಭೀರ ಸ್ವಭಾವದ ಬಗ್ಗೆ ತಿಳಿದಿದ್ದ ನಾನು, ಅವರಾಗಿ ಏನಾದರೂ ಕೇಳಿದರೆ ಮಾತ್ರ ಹೇಳಬೇಕೆಂದು, ಸಹಪಯಣದ ಖುಶಿಯನ್ನು ಅನುಭವಿಸುತ್ತ ಜತೆಗೆ ಕೂತಿದ್ದೆ. ಗಿರಿಯನ್ನು ವಾಹನ ಹತ್ತುವಾಗ, ನೆತ್ತಿಮೇಲಣ ಶಿಖರಗಳನ್ನೂ ಕೆಳಗಿನ ಕಣಿವೆಗಳನ್ನೂ ನೋಡುತ್ತ ಕಾರ್ನಾಡರು `ಓಹ್ ಎಷ್ಟೊಂದು ಸುಂದರವಾಗಿದೆಯಲ್ಲ’’ ಎಂದು ಉದ್ಗರಿಸುತ್ತ ಮಗುವಿನಂತೆ ಪುಟಿಯುತ್ತಿದ್ದರು.
ಅವರೊಬ್ಬ ಸೆಲೆಬ್ರಿಟಿಯಾದರೂ ಸರಳವ್ಯಕ್ತಿ. ಅಭಿನಯ ಅವರ ವೃತ್ತಿಯಾದರೂ ವ್ಯಕ್ತಿಯಾಗಿ ತೋರಿಕೆಯೇ ಇಲ್ಲದ ನೇರಗುಣದವರು. ಗೋಕರ್ಣದಲ್ಲಿ ನಡೆದ ಗೌರೀಶ ಕಾಯ್ಕಿಣಿಯವರ ಶತಮಾನೋತ್ಸವ ಕಾರ್ಯಕ್ರಮದಲ್ಲಿ ನಮ್ಮನ್ನು ತೋಟದ ಮನೆಯೊಂದರಲ್ಲಿ ಉಳಿಸಲಾಗಿತ್ತು. ಕಾರ್ನಾಡರು ನನಗಿಂತಲೂ ವೈದ್ಯೆಯಾದ ನನ್ನ ಮಗಳ ಜತೆ ಹೆಚ್ಚು ಮಾತನಾಡಿದರು. ಆದಿನ ನಾನು ಅವರ `ಆಡಾಡ್ತಾ ಆಯುಷ್ಯ’ ಒಳಗೊಂಡಂತೆ (ಬೆರಗು ಹುಟ್ಟಿಸುವ ಭಾಷೆಯುಳ್ಳ ವಿಶಿಷ್ಟ ಗದ್ಯಶೈಲಿಯ ಕೃತಿಯಿದು) ಕನ್ನಡದ ಆತ್ಮಕತೆಗಳ ಬಗ್ಗೆ ಉಪನ್ಯಾಸ ಮಾಡಿದೆ. ಬಸಳೆಸೊಪ್ಪಿನ ಹೊರೆಯನ್ನು ಅವರ ಕೈಯಿಂದ ಉಡುಗೊರೆ ಕೊಡಿಸಲಾಯಿತು. ಉಪನ್ಯಾಸದ ಬಳಿಕ ಕಾರ್ನಾಡರು ಕೇಳಿದರು: “ಭಾರತದ ಮೊಟ್ಟಮೊದಲ ಆತ್ಮಕಥೆ `ಅರ್ಧಕಥಾನಕ’ ಓದಿದ್ದೀರಾ?” “ಇಲ್ಲ” “ನೀವು ಓದಲೇಬೇಕು. ಅಪರೂಪದ ಪುಸ್ತಕ. 16ನೇ ಶತಮಾನದ್ದು’’. ಬೆಂಗಳೂರಿಗೆ ಹೋದೊಡನೆ ನೆರಳಚ್ಚನ್ನು ಕಳಿಸಿಕೊಟ್ಟರು. ವ್ಯವಹಾರ ಪ್ರಜ್ಞೆಯಿಲ್ಲದವನೂ ಕಾವ್ಯಪ್ರೇಮಿಯೂ ಆದ ಜೈನ ವ್ಯಾಪಾರಿಯೊಬ್ಬನ ರೋಚಕ ಅನುಭವಗಳ ಕಥನವದು.
ಹೀಗೆ ಸಣ್ಣಗೆ ಆರಂಭವಾದ ಪರಿಚಯ `ಅಮೀರಬಾಯಿ ಕರ್ನಾಟಕಿ’ ಪುಸ್ತಕದ ಸನ್ನಿವೇಶದಲ್ಲಿ ಧಕ್ಕೆಗೊಳಗಾಯಿತು. ನಾನು ಅಮೀರಬಾಯಿ ಸಂಶೋಧನೆಗೆಂದು ಪುಣೆ ಮುಂಬೈ ತಿರುಗಾಡುವಾಗ, ಮಹಾರಾಷ್ಟ್ರದಲ್ಲಿ ಕಾರ್ನಾಡರಿಗೆ ಸಿನಿಮಾ ಮತ್ತು ಸಾಹಿತ್ಯ ಕ್ಷೇತ್ರದಲ್ಲಿರುವ ಮರ್ಯಾದೆಯನ್ನು ಗಮನಿಸಿದ್ದೆ. ಮರಾಠಿ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾಡಿದ ದಿಟ್ಟ ಭಾಷಣವು-ಅದರಲ್ಲಿ ರಾಜಕೀಯ ಪಕ್ಷಗಳು ಸೈನೀಕರಣಗೊಳ್ಳುವುದರ ಬಗ್ಗೆ ಕಟುವಾದ ವಿಮರ್ಶೆಯಿದೆ- ಅಲ್ಲಿನ ಲೇಖಕರು ನೆನಪಿಟ್ಟಿದ್ದರು. ಕನ್ನಡ-ಮರಾಠಿ ಸಾಂಸ್ಕøತಿಕ ಬಾಂಧವ್ಯದ ಕೊಂಡಿಯಾಗಿದ್ದ ಅಮೀರಬಾಯಿ ಕುರಿತ ಹೊತ್ತಗೆಯನ್ನು ಅವರೇ ಬಿಡುಗಡೆ ಮಾಡಿದರೆ ಚೆನ್ನವೆನಿಸಿತು. ಹೇಗೂ `ಸಾಹಿತ್ಯ ಸಂಭ್ರಮ’ದ ಕಾರ್ಯಕ್ರಮಕ್ಕಾಗಿ ದಿನ ಮೊದಲೇ ಧಾರವಾಡಕ್ಕೆ ಬರುತ್ತಿದ್ದರು. ಹಿಂದಿನ ದಿನ ಸಂಜೆ ಬಿಡುಗಡೆ ಮಾಡಲು ಸಾಧ್ಯವೇ ಎಂದು ಕೇಳಿದೆ. ಕೂಡಲೇ ಒಪ್ಪಿದರು.
ಆದರೆ ಸಾಹಿತ್ಯ ಸಂಭ್ರಮ ಕಾರ್ಯಕ್ರಮದ ಸ್ವರೂಪದ ಬಗ್ಗೆ ಭಿನ್ನಮತ ವ್ಯಕ್ತಪಡಿಸಿ ನಾನು ಭಾಗವಹಿಸದೆ ಹೊರಗುಳಿದೆ. ಕಾರ್ನಾಡರು ಕರೆ ಮಾಡಿ “ನೀವು ಸಂಭ್ರಮಕ್ಕೆ ಬರಲು ನಿರಾಕರಿಸಿದರಂತೆ. ನಿಜವೇ?’’ ಎಂದು ಕೇಳಿದರು. ಹೌದೆಂದೆ. `ಹಾಗಿದ್ದಲ್ಲಿ ನಿಮ್ಮ ಕಾರ್ಯಕ್ರಮಕ್ಕೆ ಬರಲಾರೆ, ಕ್ಷಮಿಸಿ’ ಎಂದರು. `ಆಗಲಿ’ ಎಂದೆ. ಅವರಿಗೆ ತಾನು ಹಾಗೆ ಮಾಡಿದ್ದು ಸರಿಯಲ್ಲ ಅನಿಸಿರಬೇಕು. ಧಾರವಾಡದಲ್ಲಿರುವ ತಮ್ಮ ಒಡನಾಡಿ ಸುರೇಶ ಕುಲಕರ್ಣಿಯವರೊಟ್ಟಿಗೆ ತಮ್ಮ ಚಡಪಡಿಕೆ ಹಂಚಿಕೊಂಡರಂತೆ. ಆದರೆ ನಾನು ಕಾರ್ಯಕ್ರಮ ಮುಗಿದ ಬಳಿಕ ಪುಸ್ತಕದ ಗೌರವಪ್ರತಿ ಕಳಿಸಿಕೊಟ್ಟೆ. ಚೆನ್ನಾಗಿ ಬಂದಿದೆ ಎಂದು ಪತ್ರ ಬರೆದರು. ಅವರು ಆ ಘಟನೆಯನ್ನು ಮನಸ್ಸಿನಲ್ಲಿ ಇಟ್ಟುಕೊಂಡಂತೆ ಕಾಣಲಿಲ್ಲ. ತಮ್ಮ ಪರಿಚಿತರು ಯಾರಾದರೂ ಹಂಪಿ ನೋಡಬಯಸಿದರೆ, ನನ್ನ ಸಲಹೆ ಪಡೆಯಲು ಹೇಳುತ್ತಿದ್ದರು. ಒಮ್ಮೆ ಅವರ ನಾಟಕಗಳಲ್ಲಿ ನಟಿಸುವ ಬಂಗಾಳದ ನಟಿ ಹಂಪಿಯಲ್ಲಿ ಹಣ ಪಾಸ್ಪೋರ್ಟುಳ್ಳ ಪರ್ಸನ್ನು ಕಳೆದುಕೊಂಡರು. ಕಾರ್ನಾಡರು ಕರೆಮಾಡಿ ಆಕೆಗೆ ಬೆಂಗಳೂರಿನ ತನಕ ಬರಲು ಸಹಾಯ ಮಾಡುವುದು ಸಾಧ್ಯವೇ ಎಂದು ಕೇಳಿದರು.
ಸಂವಾದಕ್ಕೆ ಸದರವಾಗಿ ಸಿಗುವ ಲೇಖಕರಲ್ಲದ ಗಿರೀಶ್, ಬಾಳಿನ ಕೊನೆಯ ದಿನಗಳಲ್ಲಿ ತಮ್ಮ ಲಾಗಾಯ್ತಿನ ಸ್ವಭಾವಕ್ಕೆ ಪ್ರತಿಯಾಗಿ, ಸಾಂಸ್ಕøತಿಕ ನಾಯಕತ್ವದ ದನಿ ಮೊಳಗಿಸಿದರು. ತಮಗೆ ತಪ್ಪೆಂದು ಕಂಡ ವಿಷಯಗಳಲ್ಲಿ ಪರಿಣಾಮ ಲೆಕ್ಕಿಸದೆ ದಿಟ್ಟತನದ ನಿಲುವು ತೆಗೆದುಕೊಂಡರು. ತಮ್ಮ ತಾತ್ವಿಕ ರಾಜಕೀಯ ನಿಲುವಿಗೆ ವಿರುದ್ಧವಿರುವ ದೊಡ್ಡ ಸಾಧಕರನ್ನೂ ಲೆಕ್ಕಿಸದೆ ಶಾಬ್ದಿಕ ಹಿಂಸೆಗೆ ಗುರಿಪಡಿಸುವ ಈಚಿನ ಪದ್ಧತಿಗೆ ಬಲಿಯೂ ಆದರು. ಗೌರಿಲಂಕೇಶ್ ಸ್ಮರಣ ಕಾರ್ಯಕ್ರಮಕ್ಕೆ `ನಾನೂ ನಗರ ನಕ್ಸಲ್’ ಎಂದು ಕೊರಳಿಗೆ ಬೋರ್ಡು ಸಿಕ್ಕಿಸಿಕೊಂಡು ಬಂದ ಸನ್ನಿವೇಶ ನೆನಪಾಗುತ್ತಿದೆ. ಅದು ತೀರಾ ನಾಟಕೀಯವಾಗಿತ್ತು. ಆದರೆ ಅವರ ಸ್ಪಷ್ಟತೆ ಧೈರ್ಯ ಸಿಟ್ಟು ಹತಾಶೆ ಆಕ್ಟಿವಿಸಂಗಳ ಆತ್ಯಂತಿಕ ರೂಪಕವಾಗಿತ್ತು. ಆರೋಗ್ಯ ಸರಿಯಿರಲಿಲ್ಲ. ಕೈಯಲ್ಲಿ ಆಮ್ಲಜನಕದ ಸಿಲಿಂಡರನ್ನು ಹಿಡಿದಿದ್ದರು. ಅಪರಾಧಿಗಳ ಕೊರಳಿಗೆ ಫಲಕ ತೂಗುಹಾಕುವುದು ಕ್ರಮವಿದೆ. ಶಿಲುಬೆಗೇರಿದ ಕ್ರಿಸ್ತನ ಕೊರಳಿಗೂ `ನಜರೇತಿನ ಅರಸ’ ಎಂಬ ವ್ಯಂಗ್ಯದ ಫಲಕ ತೂಗಿಸಲಾಗಿತ್ತು. ಆದರೆ ಕಾರ್ನಾಡರು ಇದನ್ನು ಸ್ವತಃ ಧಾರಣಮಾಡಿದ್ದರು. `ವಿಚಾರ ಮಾಡುವುದು, ಪ್ರಭುತ್ವವನ್ನು ವಿಮರ್ಶಿಸುವುದು, ಮತಧರ್ಮದ ಹಿಂಸೆ ಖಂಡಿಸುವುದು ಅಪರಾಧವಾದರೆ ನಾನೂ ಅಪರಾಧಿ’ ಎಂಬ ನಾಟಕೀಯ ತಪ್ಪೊಪ್ಪಿಗೆಯನ್ನು ಅದು ಒಳಗೊಂಡಿತ್ತು. ಜನಪದ ಮಿತ್ ಮತ್ತು ಪುರಾಣಗಳನ್ನು ನಾಟಕಗಳಿಗೆ ದುಡಿಸಿಕೊಂಡ ಕಾರ್ನಾಡರು ನಾಗರಿಕ ಹಕ್ಕುಗಳ ವಿಷಯ ಬಂದರೆ, ಮುಕ್ತ ಸಮಾಜದ ಪರವಾದ ಆಕ್ಸಫರ್ಡ್ ಪದವೀಧರರೇ. ನಾಗರಿಕ ಸಮಾಜವೊಂದರಲ್ಲಿ ಸಹಜವಾಗಿ ಇರಬೇಕಾದ ಸ್ವಾತಂತ್ರ್ಯದ ಪರವಾಗಿ ಅವರು ಸದಾ ಆಲೋಚಿಸುತ್ತಿದ್ದರು. ಫಲಕದಲ್ಲಿರುವ ಬರೆಹವು ಸ್ವಹಸ್ತಾಕ್ಷರದಲ್ಲಿತ್ತು. ದೇಶದ ಸುದ್ದಿಯಾಗಬೇಕೆಂದೇ ಇಂಗ್ಲೀಶಿನಲ್ಲಿತ್ತು. ಅದರಲ್ಲಿ ದೇಶೀಭಾಷೆಯ ಲೇಖಕ ಎಂಬುದನ್ನು ದಾಖಲಿಸುವಂತೆ `ನಾನು ಕೂಡ’ ಎಂಬ ಎರಡು ಪದಗಳು ಕನ್ನಡದಲ್ಲಿದ್ದವು. ಉಸಿರ್ಗಟ್ಟಿಸುವ ಸನ್ನಿವೇಶಕ್ಕೆ ತುಡಿಯುವಂತೆ ಕೈಯಲ್ಲಿ ಆಕ್ಸಿಜನ್ ಸಿಲಿಂಡರಿತ್ತು.
ಅದೊಂದು ಅಭಿಮಾನ ಉಕ್ಕಿಸುವ ಮತ್ತು ಎದೆಕರಗಿಸುವ ಚಿತ್ರ; ಸಮಾಜದ ಹದುಳಕ್ಕಾಗಿ ತನ್ನ ಬೇನೆಯಲ್ಲೂ ಲೇಖಕ ರಿಸ್ಕ್ ತೆಗೆದುಕೊಳ್ಳುವ ಪ್ರತೀಕ. ಕಾರ್ನಾಡರಲ್ಲಿ ಲೆಕ್ಕಾಚಾರ ದ್ವಂದ್ವ ಇರಲಿಲ್ಲ. ಅಂತರಂಗಕ್ಕೆ ಸರಿಯೆನಿಸಿದ್ದನ್ನು ಹೇಳುವ-ಮಾಡುವ ಪ್ರಾಮಾಣಿಕತೆಯಿತ್ತು. ಇದು ಅವರ ಶವಸಂಸ್ಕಾರದಲ್ಲೂ ವ್ಯಕ್ತವಾಯಿತು. ಅವರು ಸತ್ತು ದೊಡ್ಡವರಾದವರು; ಅವರನ್ನು ಕೆಟ್ಟದಾಗಿ ನಡೆಸಿಕೊಂಡು ಬದುಕಿರುವ ನಾವು ಸಣ್ಣವರಾದೆವು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoಬೆಂಗಳೂರು ಕಟ್ಟಡ ತೆರವು ಕಾರ್ಯಾಚರಣೆ: 18 ಅಂತಸ್ತಿನ ಅಪಾರ್ಟ್ಮೆಂಟ್ಗೆ ‘ಡೆಮಾಲಿಷನ್’ ಶುರು!
-
ದಿನದ ಸುದ್ದಿ5 days agoಕಲಬುರಗಿ ಪಾಲಿಕೆಯಲ್ಲಿ ಮತ್ತೆ ಕಾಂಗ್ರೆಸ್ ಮೇಲುಗೈ: ಮೇಯರ್-ಉಪ ಮೇಯರ್ ಸ್ಥಾನವೂ ‘ಕೈ’ ತೆಕ್ಕೆಗೆ!
-
ದಿನದ ಸುದ್ದಿ5 days agoವಾಲ್ಮೀಕಿ ಹಗರಣದ ಕಿಡಿ ಮತ್ತೆ ಬಳ್ಳಾರಿಯಲ್ಲಿ: ನಾಗೇಂದ್ರ ವಿರುದ್ಧ ಜನಾರ್ಧನ ರೆಡ್ಡಿ ವಾಗ್ದಾಳಿ, ಕಾಂಗ್ರೆಸ್ಗೆ ರಾಜೀನಾಮೆ ಸವಾಲು!
-
ದಿನದ ಸುದ್ದಿ2 days agoಬಿಜೆಪಿ ರೈತ ಮೋರ್ಚಾದಿಂದ ಬಂದ್ಗೆ ಕರೆ; ಹಲವು ವೃತ್ತಗಳಲ್ಲಿ ಟೈರ್ಗೆ ಬೆಂಕಿ, ಬೆಂಕಿ ನಂದಿಸಿದ ಪೊಲೀಸರು
-
ದಿನದ ಸುದ್ದಿ6 days agoವೈದ್ಯಕೀಯ ಕಾಲೇಜುಗಳ ಹಾಸ್ಟೆಲ್ ಕ್ಯಾಂಟೀನ್ಗಳಿಗೆ ಅಧಿಕಾರಿಗಳ ಶಾಕ್! 34 ಕ್ಯಾಂಟೀನ್ ಪರಿಶೀಲನೆ, 5ಕ್ಕೆ ನೋಟಿಸ್
-
ದಿನದ ಸುದ್ದಿ5 days agoTrump Oil Deal: ವೆನೆಜುವೆಲಾದ 65 ಬಿಲಿಯನ್ ಬ್ಯಾರೆಲ್ ತೈಲದ ಮೇಲೆ ಅಮೆರಿಕದ ಕಣ್ಣು; ಇದು ವಿಶ್ವದ ಅತಿದೊಡ್ಡ ಡೀಲ್ನಾ?
-
ದಿನದ ಸುದ್ದಿ6 days agoಪಾಕ್ ಗಡಿಯಿಂದ ಡ್ರೋನ್ ಎಂಟ್ರಿ ಶಂಕೆ: ಪೂಂಚ್ನಲ್ಲಿ ಹೈ ಅಲರ್ಟ್, 3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಬೇಟೆ
-
ದಿನದ ಸುದ್ದಿ3 days agoಕುಂದುಕೊರತೆಗಳಿಗೆ ತ್ವರಿತ ಪರಿಹಾರ ನೀಡಲು ಏಕೀಕೃತ ವ್ಯವಸ್ಥೆ; ಶನಿವಾರ ಜನಸಂಪರ್ಕ, ಬುಧವಾರ ಮೂರು ಹಂತದ ಪರಿಶೀಲನೆ

