ಅಂತರಂಗ
ಅರಿಮೆಯ ಅರಿವಿರಲಿ-15 : ಅಹಂ ಬ್ರಹ್ಮಾಸ್ಮಿ
- ಯೋಗೇಶ್ ಮಾಸ್ಟರ್
“ತನಗೇ ಎಲ್ಲಾ ಗೊತ್ತು. ನಾನು ಹೇಳುವುದೆಲ್ಲಾ ಸರಿಯೇ ಇರುತ್ತದೆ. ನನಗೆ ಯಾರ ನಿರ್ದೇಶನವೂ ಬೇಡ. ನನ್ನ ನಿರ್ದೇಶನದಲ್ಲಿ ಎಲ್ಲವೂ ಆಗಬೇಕು. ನಾನು ಹೇಳಿದಷ್ಟು ಮಾತ್ರ ಕೇಳಿ. ನನಗೇನೂ ಹೇಳಲು ಬರಬೇಡಿ” ಎಂದು ತಾನೊಬ್ಬ ಸರ್ವಶಕ್ತ ಭಗವಂತನಂತೆ ವರ್ತಿಸುವವರನ್ನು ನಿಮ್ಮ ಬದುಕಿನ ಎಲ್ಲಾ ರಂಗಗಳಲ್ಲೂ ಒಂದಲ್ಲಾ ಒಂದು ಕಡೆ ನೋಡಿ ಇರುತ್ತೀರಿ. ಇದೂ ಆತ್ಮರತಿಯದೇ ಅರಿಮೆ. ಆದರೆ ಅದಕ್ಕಿಂತ ಒಂದು ಕೈ ಮೇಲು. ಇದಕ್ಕೆ God Complex ಅಥವಾ ದೈವಿಕ ಅರಿಮೆ ಎಂದು ಗುರುತಿಸುತ್ತಾರೆ.
ಈ ಅರಿಮೆಯಲ್ಲಿ ವ್ಯಕ್ತಿ ತಾನೊಬ್ಬ ದೈವೀಪುರುಷನೆಂದು ಭಾವಿಸುವುದಷ್ಟೇ ಅಲ್ಲದೇ ದೇವರಿಗಿದ್ದಂತೆ ತನಗೆ ಶಕ್ತಿಸಾಮರ್ಥ್ಯಗಳೂ ಇವೆ ಎಂದು ಭ್ರಮಿಸುವುದು ಎಂದೇನೂ ಇಲ್ಲ. ತಾನು ಯಾರಿಗೂ ಉತ್ತರಿಸಬೇಕಾಗಿಲ್ಲ ಎಂಬ ಧೋರಣೆಯನ್ನು ಹೊಂದಿರುವನು. ಆದರೆ ನಮ್ಮ ದೇಶದಲ್ಲಿ ನಾನೇ ಭಗವಂತ ಎಂದು ನೇರವಾಗಿ ಸಾರಿಕೊಳ್ಳುವ ದೇವ ಮಾನವರನ್ನು ಕಂಡಿದ್ದೇವೆ.
ತಾವು ದೈವೀ ಪುರುಷರೆಂದು ಹೇಳಿಕೊಂಡು ಆಧ್ಯಾತ್ಮ ಪುರುಷರು ತೋರುವ ವರ್ತನೆಗಳಿಂದ ಆಸ್ತಿಕರಿಗೆ ಭಕ್ತಿ ಬರಬಹುದು, ಆದರೆ ನಾಸ್ತಿಕರಿಗೆ ನಗು ಬರುತ್ತದೆ. ಆದರೆ ಇವುಗಳನ್ನು ಮೀರಿ ಮನೋವೈದ್ಯರಿಗೆ ಇವರ ದೈವಿಕ ಅರಿಮೆ ಒಂದು ಅಧ್ಯಯನದ ವಿಷಯ. ಇದಿರುವವರು ಒಬ್ಬ ಮನೋರೋಗಿ ಅಷ್ಟೇ.
ದೇವರಾಗಲು ನೂರು ದಾರಿ
ಧಾರ್ಮಿಕ ಮತ್ತು ಅಧ್ಯಾತ್ಮಿಕ ವ್ಯಕ್ತಿಗಳು ಮಾತ್ರ ಈ ಬಗೆಯ ದೈವಿಕ ಅರಿಮೆಯನ್ನು ಹೊಂದಿರುತ್ತಾರೆಂದುಕೊಳ್ಳಬೇಡಿ. ಈ ಅರಿಮೆ ನಾನಾ ರೀತಿಗಳಿಂದ ಬೆಳೆಯುತ್ತಾ ಹೋಗುತ್ತದೆ.ಯಾವುದೋ ಒಂದು ಕ್ಷೇತ್ರದಲ್ಲಿ ಮಹತ್ತರ ಸಾಧನೆಯನ್ನು ಮಾಡಿರುವವರು ಬಹು ಬೇಗ ಇಂಥಾ ಭ್ರಮೆಗೆ ಒಳಗಾಗಿರುವುದರ ಉದಾಹರಣೆ ಸಾಕಷ್ಟು ನಮ್ಮ ಕಣ್ಣ ಮುಂದಿವೆ.
ಸಂಗೀತದಲ್ಲಾಗಿರಬಹುದು, ವೈದ್ಯಕೀಯ ಕ್ಷೇತ್ರದಲ್ಲಾಗಿರಬಹುದು, ರಾಜಕೀಯದಲ್ಲಾಗಿರಬಹುದು, ಸಾಹಿತ್ಯದಲ್ಲಾಗಿರಬಹುದು; ಅತ್ಯುನ್ನತ ಗೌರವಗಳನ್ನು ಪಡೆಯುತ್ತಿದ್ದು, ಅವರ ಕೀರ್ತಿ ಮತ್ತು ಸಾಮಾಜಿಕ ಸ್ಥಾನಮಾನದ ದೆಸೆಯಿಂದ ಅವರನ್ನು ಕಂಡವರಾರು ಸಹಜವಾಗಿ ಕಡೆಗಣಿಸುವುದಿಲ್ಲ. ಅವರು ಯಾರಿಗಾದರೂ ನಿರ್ದೇಶನಗಳನ್ನು ನೀಡಿದರೆ “ಇಂಥಾ ದೊಡ್ಡ ಮನುಷ್ಯರು ಕೇಳಿದ್ದಾರೆ” ಎಂದು ಗೌರವದಿಂದ ಅನುಸರಿಸುತ್ತಾರೆ.
ಆದರೆ ಮೇಲಿಂದ ಮೇಲೆ ಆಗುವ ಇಂತಹ ಅನುಭವಗಳಿಂದ ಅಥವಾ ತಾವೇ ತಮ್ಮ ಬಗ್ಗೆ ಹೊಂದುವ ಚಿತ್ರಣದಿಂದ ದೈವಿಕ ಅರಿಮೆಗೆ ಒಳಗಾಗುತ್ತಾರೆ. ಅವರಿಗಿಂತ ಮೇಲಾಗಿ ಯಾರಾದರೂ ವರ್ತಿಸಿದರೆ ಅವರಿಗೆ ಆಗುವುದಿಲ್ಲ. ಜೀಯಾ, ಸ್ವಾಮಿ ಎಂದು ಯಾರೇ ಅಂಗಲಾಚಿದರೂ ಅವರಿಗೆ ಅಭಯ ಹಸ್ತವನ್ನು ತೋರುತ್ತಾರೆ. ನಾನು ನಿನ್ನ ಕಾಪಾಡುತ್ತೇನೆ ಎಂಬ ವರದಾನದ ಭರವಸೆ ನೀಡುತ್ತಾರೆ.
ಎಷ್ಟರ ಮಟ್ಟಿಗೆ ಅವರನ್ನು ಅದು ಕಾಡುತ್ತದೆ ಎಂದರೆ ಎಷ್ಟೋ ಬಾರಿ ಅವರು ಪರಸ್ಪರ ಗೌರವ ಸೂಚಕ ನಮಸ್ಕಾರ ಕೂಡಾ ಅವರು ಮಾಡುವುದಿಲ್ಲ. ಇತರರ ನಮಸ್ಕಾರವನ್ನು ಮಾತ್ರ ಸ್ವೀಕರಿಸುತ್ತಾರೆ. ನಮ್ಮ ಭಾರತದಲ್ಲಿ ಇಂತಹ ದೈವಿಕ ಅರಿಮೆಯನ್ನು ಹೊಂದಿರುವಂತಹ ಹಲವಾರು ಗಣ್ಯರು ನಮಗೆ ಕಾಣಬರುತ್ತಾರೆ.
ನಾನೇ ಭಗವಂತ
ಈಗ್ಗೆ ಕೆಲವು ವರ್ಷಗಳ ಹಿಂದೆ ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕರೊಬ್ಬರು ಧ್ಯಾನ, ಆಧ್ಯಾತ್ಮಿಕ ಸಾಧನೆ ಇತ್ಯಾದಿಗಳನ್ನು ಬಹಳ ಗಂಭೀರವಾಗಿ ಮಾಡುತ್ತಿದ್ದರು. ಅಹಂ ಬ್ರಹ್ಮಾಸ್ಮಿಯ ಅರಿಮೆಯು ಅದೆಷ್ಟರ ಮಟ್ಟಿಗೆ ಮನಸ್ಸಿನ ಆಳಕ್ಕಿಳಿದಿತೆಂದರೆ, ನೆಲದ ಜೊತೆಗೆ ಸಂಪರ್ಕ ನಿಲ್ಲಿಸಿದರು. ಅಂದರೆ ಬರಿಗಾಲಿನಲ್ಲಿ ನೆಲದ ಮೇಲೆ ನಡೆಯುತ್ತಿರಲಿಲ್ಲ. ಅವರು ಹೊರಗಿನ ಜನರನ್ನು ಸಂದರ್ಶಿಸುವುದನ್ನು ನಿಲ್ಲಿಸಿದರು. ಯಾರಿಗೂ ಕೈ ಕುಲುಕುತ್ತಿರಲಿಲ್ಲ. ತಮ್ಮ ಶಕ್ತಿಯ ಪತನವಾಗುತ್ತದೆ ಎಂದು ಭಾವಿಸಿ ಬಹುತೇಕ ಮಾನಸಿಕ ರೋಗಿಯಂತಾಗಿದ್ದರು. ನಂತರ ಅವರ ಆಪ್ತರ ಸಮಾಲೋಚನೆ ಮತ್ತು ಮುನ್ನೆಚ್ಚರಿಕೆಯಿಂದ ಅವರ ಅರಿವಿಗೂ ತಮ್ಮ ವಿಷಯ ನಿಲುಕಿತು ಮತ್ತು ಮುಂದೆ ಗುಣಮುಖರೂ ಆಗಿ ತಮ್ಮ ಸಂಗೀತ ಸಾಧನೆ ಮುಂದುವರಿಸಿದರು.
ಗಣ್ಯರಿರಲಿ, ಕೆಲವರು ಸಾಮಾಜಿಕ ಜೀವನದಲ್ಲಿ ಅದೆಷ್ಟೇ ನಗಣ್ಯರಾಗಿದ್ದರೂ, ಈ ಬಗೆಯ ಅರಿಮೆಯನ್ನು ಹೊಂದಿದ್ದು ಕಂಡವರ ಪಾಲಿಗೆ ನಗೆಪಾಟಲಾಗುತ್ತಾರೆ. ಜನಸಾಮಾನ್ಯರಿಗೆಂದು ಇರುವ ಸಾಮಾನ್ಯ ನಿಯಮಗಳು ಅಥವಾ ರೀತಿನೀತಿಗಳು ತಮಗೆ ಅನ್ವಯವಾಗುವುದಿಲ್ಲ ಎಂದು ಭಾವಿಸುತ್ತಾರೆ. “ಇದು ಒನ್ ವೇ. ಹೋಗುವುದು ಬೇಡ” ಎಂದರೆ, “ನನಗ್ಯಾವ ಒನ್ ವೇ?” ಎಂದು ಎದೆಯುಬ್ಬಿಸಿ ನಗುತ್ತಾರೆ. ಮೇಲರಿಮೆಯ ತುತ್ತತುದಿಯ ಭಾಗವಿದು. ಅವರು ತಮಗೊಂದು ವರ್ಚಸ್ಸಿದೆ ಎಂದು ಭಾವಿಸುತ್ತಾರೆ.
ಗಾಢ ಮತ್ತು ಆಳವಾದ ಪ್ರಭಾವವನ್ನು ಬೀರುವಂತಹ ಧ್ವನಿ ಇದೆ ಎಂದುಕೊಂಡು ಅದೇ ರೀತಿ ಘನ ಗಂಭೀರದಿಂದ ಮಾತಾಡುತ್ತಾರೆ. ತಮ್ಮಿಂದ ಆಗದೇ ಇರುವಂತಹ ಕೆಲಸವೇ ಇಲ್ಲ ಎಂಬಂತೆ ಆಶ್ವಾಸನೆಗಳನ್ನು ನೀಡುತ್ತಾರೆ. ತಮಗಿಂತ ವಯಸ್ಸಿನಲ್ಲಿ, ಸಾಧನೆಯಲ್ಲಿ ದೊಡ್ಡವರನ್ನು ಕಂಡರೂ ತಮಗಿರುವ ವಿಶೇಷ ದೈವಿಕ ಸಾಮರ್ಥ್ಯ ಮತ್ತು ಅಸ್ತಿತ್ವದ ಮುಂದೆ ಅದೆಲ್ಲವೂ ಕ್ಷುಲ್ಲಕವೆಂದೇ ಅವರ ಭಾವನೆಯಾಗಿರುತ್ತದೆ.
ಅವರನ್ನು ಇತರರು ಸರಿಪಡಿಸುವುದು ಬಹಳ ಕಷ್ಟ. ಅವರಿಗೇ ತಮಗೆ ಈ ಬಗೆಯ ಅರಿಮೆ ಇದೆ ಎಂದು ಅರ್ಥವಾಗಬೇಕು. ತಾನು ವರ್ತಿಸುವ ಸಮಯದಲ್ಲೆಲ್ಲಾ ಎಚ್ಚರಗೊಳ್ಳಬೇಕು. ಹಾಗೆ ವರ್ತಿಸದೇ ಸಹಜವಾಗಿ ವರ್ತಿಸುವಂತಹ ಅಭ್ಯಾಸವನ್ನು ಮಾಡಬೇಕು. ಸತತವಾದ ಅಭ್ಯಾಸ ಮಾಡುತ್ತಿದ್ದರೆ ದೈವಿಕ ಅರಿಮೆಯಿಂದ ಹೊರಬರಲು ಸಾಧ್ಯ.
ಸೃಷ್ಟಿಕರ್ತ
ಸಾಮಾನ್ಯವಾಗಿ ಈ ದೈವಿಕ ಅರಿಮೆಯು ಬದುಕಿನ ಎಲ್ಲಾ ರಂಗಗಳಲ್ಲಿದ್ದರೂ ಸೃಜನಶೀಲ ವ್ಯಕ್ತಿಗಳಲ್ಲಿ ಹೆಚ್ಚಾಗಿ ಕಾಣುತ್ತದೆ. ಇದಕ್ಕೆ ಬಹುಶಃ ದೇವರು ಎಂಬ ಸೃಷ್ಟಿಕರ್ತನ ಪರಿಕಲ್ಪನೆ ಮನಸ್ಸಿನಲ್ಲಿ ಆಳವಾಗಿ ಬೇರೂರಿದ್ದು, ತಾವೂ ಕಲೆ, ಸಾಹಿತ್ಯ ಇತ್ಯಾದಿಗಳಲ್ಲಿ ಸೃಷ್ಟಿಸುವ ಕೆಲಸದಲ್ಲಿ ನಿರತರಾಗಿರುವುದರಿಂದ ಈ ಅರಿಮೆ ನಿಧಾನವಾಗಿ ತಲೆದೋರಬಹುದು.
ಮಗುವೊಂದು ಅದೂ ಇದೂ ಜೋಡಿಸಿಕೊಂಡು ಆಟವಾಡುವುದನ್ನು ಗಮನಿಸಿ. ಅದಕ್ಕೆ ಹೊರಗಿನ ಲೋಕದ ಪರಿವೆಯೇ ಇರುವುದಿಲ್ಲ. ಅದಕ್ಕೆ ನಿರ್ಧಿಷ್ಟವಾಗಿ ಏನು ರಚಿಸುತ್ತಿದ್ದೇನೆ ಎಂದು ಸರಿಯಾಗಿ ತಿಳಿಯದಿದ್ದರೂ ಏನನ್ನೋ ಸೃಷ್ಟಿಸುವ ಕ್ರಿಯೆಯಲ್ಲಿ ಮೈಮರೆತಿರುತ್ತದೆ. ಅದೇ ರೀತಿ ಸೃಜನಶೀಲ ವ್ಯಕ್ತಿಗಳೂ ಕೂಡಾ ಸೃಷ್ಟಿಯಕಾರ್ಯದಲ್ಲಿ ನಿರತರಾಗಿರುವಾಗ ಹೊರ ಜಗತ್ತಿನ ಪರಿವೆಯನ್ನು ಹೊಂದಿರುವುದಿಲ್ಲ. ಹಾಗಾಗಿ ಕೆಲವು ಕಲಾವಿದರ ವರ್ತನೆಯು ವಿಲಕ್ಷಣ ಎಂದೂ ಅನ್ನಿಸಬಹುದು. ಅವರಿಗೆ ಯಾರೂ ಸರಿಪಡಿಸಲು ಹೋಗಲಾಗದು.
ಏಕೆಂದರೆ ಅವರು ಕುಟುಂಬದ ಬಂಧವನ್ನು, ಸಂಬಂಧಗಳನ್ನೂ ಕೂಡಾ ಕಳೆದುಕೊಳ್ಳಲು ಸಿದ್ಧರಾಗಿರುವರು. ವಾಸ್ತವವಾಗಿ ಅವರಿಗೆ ಅವೆಲ್ಲವೂ ಅವರ ಸೃಷ್ಟಿಕಾರ್ಯದಲ್ಲಿ ಅಡಚಣೆಗಳೆಂದೇ ಅನ್ನಿಸುವುದು. ಅವರ ಸಂಬಂಧ ಮತ್ತು ಅದರ ಸುತ್ತಲಿನ ಚಟುವಟಿಕೆಗಳು ಕಲಾವಿದರಿಗೆ ಬಂಧನ ಎನ್ನಿಸುವುದು. ಬಹಳಷ್ಟು ಕಲಾವಿದರ ವೈವಾಹಿಕ ಸಂಬಂಧಗಳೂ ಕೂಡಾ ಮುರಿದುಬೀಳುವುದು ಏನೂ ಆಶ್ಚರ್ಯವಿಲ್ಲ. ದೈವಿಕದರಿಮೆಯ ವ್ಯಕ್ತಿಗಳಿಗೆ ದಾಂಪತ್ಯ ಜೀವನ ಕಷ್ಟಸಾಧ್ಯ.
ತಾವು ಇಂತಹುದ್ದೊಂದರ ಅರಿಮೆಯಲ್ಲಿ ಇದ್ದೇವೆ ಎಂದು ತಿಳಿದರೆ ಅವರು ಇದರಿಂದ ಹೊರಗೆ ಬರುವ ಪ್ರಯತ್ನ ಮಾಡಬಲ್ಲರು. ವಿಶ್ವದ ವಿರಾಟ್ ಸ್ವರೂಪದ ಮುಂದೆ ತಾವೊಂದು ಅಣುವಿನಲ್ಲಿ ಅಣುವೆಂಬ ಕುಬ್ಜತೆಯ ಅರಿವಾದರೆ ತನ್ನ ವಿರಾಟ್ ರೂಪವನ್ನು ಸಂಕುಚಿತಗೊಳಿಸಿಕೊಳ್ಳಬಹುದು.
ಎಂದರೋ ಮಹಾನುಭಾವುಲು ಆಗಿರು ಹೋಗಿರುವ ಚರಿತ್ರೆಯ ಪ್ರಜ್ಞೆ ಮತ್ತು ತಾವೆಷ್ಟು ಸಂಕುಚಿತ ವ್ಯಕ್ತಿ ಎಂಬ ಭಾವ ದೈವಿಕ ಅರಿಮೆಯನ್ನು ಕ್ರಮೇಣ ಇಲ್ಲವಾಗಿಸಬಹುದು.
ರೋಗ ಲಕ್ಷಣಗಳು
ದೈವಿಕ ಅರಿಮೆಯವರ ಇನ್ನೊಂದು ರೋಗಲಕ್ಷಣವೆಂದರೆ “ತನ್ನ ತೀರ್ಮಾನ ಮತ್ತು ಕಾರ್ಯವೈಖರಿಯೇ ಉಳಿದವರಿಗಿಂತ ಸರಿಯಾದದ್ದು ಮತ್ತು ಉತ್ತಮವಾದದ್ದು” ಎಂದು ಭಾವಿಸುವುದು. ಯಾವಾಗ ಇದೇ ಭಾವನೆಯು ಸತತವಾಗಿ ಬರುತ್ತಿದೆ ಎಂದೆನಿಸಿದಾಗ ಈ ಅರಿಮೆಯ ಲಕ್ಷಣಗಳು ನನ್ನಲ್ಲೂ ಇವೆ ಎಂಬ ಎಚ್ಚರಿಕೆ ಬರಬೇಕು. ಹಾಗೆಯೇ ಮುಕ್ತ ಮನಸ್ಸಿನಿಂದ, ತೆರೆದ ಹೃದಯದಿಂದ ಇತರರ ಸಲಹೆ, ಸೂಚನೆ ಮತ್ತು ನಿರ್ದೇಶನಗಳಿಗೆ ಕಿವಿಗೊಡಬೇಕು. ಉದ್ದೇಶಪೂರ್ವಕವಾಗಿ ತನ್ನದನ್ನು ಬದಿಗಿರಿಸಿ, ಇತರರದನ್ನು ಪರಿಗಣಿಸುವ ರೂಢಿಯನ್ನು ಮಾಡಿಕೊಂಡು ತನ್ನ ಅರಿಮೆಯ ಹುಟ್ಟಡಗಿಸಬೇಕು.
ಈ ದೈವಿಕ ಅರಿಮೆಯವರ ಮತ್ತೊಂದು ಢಾಳಾದ ಲಕ್ಷಣವೆಂದರೆ, “ನನ್ನ ಯಾರೂ ಅರ್ಥ ಮಾಡಿಕೊಳ್ಳುವುದಿಲ್ಲ” ಎಂದು ಗೊಣಗುತ್ತಿರುವುದು. ಸಮಸ್ಯೆ ಏನೆಂದರೆ ಇತರರನ್ನು ಅರ್ಥ ಮಾಡಿಕೊಳ್ಳುವ ಆಲೋಚನೆಯೇ ಇವರಿಗೆ ಹೊಳೆಯದಿರುವುದು. ಹೌದು, ನಾನು ಹೇಳುವುದು ಇವರಿಗೆ ಯಾಕೆ ಅರ್ಥವಾಗುತ್ತಿಲ್ಲ? ನಾನು ಸರಿಯಾಗಿ ಹೇಳುತ್ತಿಲ್ಲವೇ? ಎಂದು ತಮ್ಮನ್ನು ಪ್ರಶ್ನಿಸಿಕೊಳ್ಳುವುದಿಲ್ಲ. ಬದಲಾಗಿ ನಾನು ಹೇಳುವುದನ್ನು ಅರ್ಥ ಮಾಡಿಕೊಳ್ಳುವ ಸಾಮರ್ಥ್ಯ ಇವರಲ್ಲಿ ಇಲ್ಲ ಅಥವಾ ಇವರು ನಾನು ಹೇಳುವುದನ್ನು ಅರ್ಥ ಮಾಡಿಕೊಳ್ಳಲಾಗದಷ್ಟು ದಡ್ಡರು ಎಂದುಕೊಳ್ಳುತ್ತಾರೆ.
ಇವೆರಡೂ ಅನ್ನಿಸದಿದ್ದರೆ, ನಾನು ಹೇಳುವುದನ್ನು ಕೇಳದೇ ಇರುವಷ್ಟು ಉದ್ಧಟತನ ತೋರುತ್ತಿದ್ದಾರೆ ಇವರಿನ್ನು ಇಲ್ಲಿ ಇರಬಾರದು ಎಂಬ ತೀರ್ಮಾನಕ್ಕೆ ಬರುತ್ತಾರೆ. ಅವರ ಆಗಿನ ಮಾತೆಂದರೆ, “ಒಂದೋ ನೀನು ಇಲ್ಲಿರಬೇಕು ಅಥವಾ ನಾನಿಲ್ಲಿ ಇರಬೇಕು.” ಈ ಮಾತಿನ ಅರ್ಥ ನಾನು ಹೋಗುತ್ತೇನೆ ಎಂದಲ್ಲ. ಇದು ನನ್ನ ಸ್ಥಳ ನೀನು ಇಲ್ಲಿಂದ ಹೋಗಬೇಕು ಎಂದರ್ಥ. ಅಂದರೆ ಒಂದೋ ನೀನು ನನ್ನ ಆಜ್ಞಾನುವರ್ತಿಯಾಗಿ ಇರಬೇಕು. ಇಲ್ಲವೆಂದರೆ ಹೋಗುತ್ತಿರಬೇಕು. ಇದು ಅವರ ಅರಿಮೆಯ ಸ್ಪಷ್ಟತೆ.
ದೈವಿಕ ಅರಿಮೆಯವರು ಎಲ್ಲಾ ವಿಷಯಗಳಲ್ಲೂ ಮಾತಾಡಲು, ತಮ್ಮ ಅಭಿಪ್ರಾಯ ನೀಡಲು, ತಮಗೆ ಆ ವಿಷಯ ಗೊತ್ತಿದೆ ಎಂದು ತೋರ್ಪಡಿಸುತ್ತಿರುತ್ತಾರೆ. ದೇವರು ಸರ್ವಜ್ಞನಲ್ಲವೇ? ಅವರು ಸಾಮಾನ್ಯವಾಗಿ ಎಲ್ಲದರ ಬಗ್ಗೆ ತಿಳಿದುಕೊಳ್ಳಲೂ ಪ್ರಯತ್ನಿಸುತ್ತಿರುತ್ತಾರೆ. ಇದಕ್ಕಿರುವ ಪರಿಹಾರ ಒಂದೇ. ತನ್ನ ಸಾಮರ್ಥ್ಯ ಮತ್ತು ಮಿತಿಯನ್ನು ಅರಿತುಕೊಳ್ಳುವುದು. ತನಗೆ ಸಾಮರ್ಥ್ಯವಿರುವುದರಲ್ಲಿ ಆತ್ಮವಿಶ್ವಾಸದಿಂದ ಕೆಲಸ ಮಾಡುವುದು. ತನಗೆ ಮಿತಿಯಿರುವ ವಿಷಯದಲ್ಲಿ ವಿನಯವಾಗಿ ತಿಳಿಯುವ ಪ್ರಯತ್ನ ಮಾಡುವುದು. ಬಲ್ಲವರ ಬಳಿ ಅಹಂಕಾರ ತೋರದೇ, ಹುಸಿ ಜ್ಞಾನದ ಪ್ರದರ್ಶನ ಮಾಡದೇ ಗೊತ್ತಿಲ್ಲ, ನನಗೇನೂ ಗೊತ್ತಿಲ್ಲ ಎಂದು ಸ್ಪಷ್ಟಪಡಿಸುವ ರೂಢಿಯನ್ನು ಮಾಡಿಕೊಳ್ಳುವುದು.
ಯಾವಾಗಲೂ ಸ್ಪರ್ಧಾತ್ಮಕವಾಗಿಯೇ ಪ್ರತಿಯೊಂದು ವಿಷಯಗಳನ್ನೊ ತೆಗೆದುಕೊಳ್ಳುವುದು. ಸವಾಲುಗಳನ್ನು ಎಸೆಯುವುದು. ಇತರ ಸಾಧನೆಗಳನ್ನು ಸವಾಲುಗಳಂತೆ ಸ್ವೀಕರಿಸುವುದು. ನಾನು ಅತ್ಯುತ್ತಮವಾದ ಪ್ರದರ್ಶನವನ್ನು ಕೊಡಬೇಕು ಎಂದು ಆಲೋಚಿಸುವುದು ಆರೋಗ್ಯಕರ ಧೋರಣೆಯ ಲಕ್ಷಣ. ಆದರೆ, ನಾನೇ ಅತ್ಯುತ್ತಮವಾದ ಪ್ರದರ್ಶನವನ್ನು ನೀಡುವುದು. ಇನ್ನಾರೂ ಕೊಡುವುದಿಲ್ಲ ಅಥವಾ ಕೊಡಕೂಡದು ಎನ್ನುವುದು ಮನೋರೋಗದ ಲಕ್ಷಣ. ಇಂತಹ ಮನಸ್ಥಿತಿಯವರು ತಮ್ಮ ಎದುರಾಳಿಗಳನ್ನು ಬಗ್ಗುಬಡಿಯಲು ಏನೆಲ್ಲಾ ಮಾಡುತ್ತಾರೆ ಎಂಬ ಸಾಕಷ್ಟು ಉದಾಹರಣೆಗಳನ್ನು ನಮ್ಮ ಸಾಮಾನ್ಯ ಜೀವಿತಾವಧಿಯಲ್ಲೇ ಕಾಣುತ್ತಿರುತ್ತೇವೆ.
ಇತರರನ್ನು ಕಡೆಗಣಿಸುವುದು ಮತ್ತು ಅವರದೇನೂ ಅಂತಹ ಸತ್ವವಿಲ್ಲ ಎನ್ನುವುದು ಈ ಅರಿಮೆಯುಳ್ಳವರ ತೀರಾ ಸಾಮಾನ್ಯ ಲಕ್ಷಣ. ತಮ್ಮನ್ನು ಇತರರೊಂದಿಗೆ ಸದಾ ಹೋಲಿಸಿಕೊಳ್ಳುತ್ತಿರುತ್ತಾರೆ. ಅದನ್ನು ಹೊರಗೆ ತೋರ್ಪಡಿಸದಿದ್ದರೂ ತಮ್ಮೊಳಗೇ ಆ ಹೋಲಿಕೆಯ ಕೆಲಸ ಭರದಿಂದ ಸಾಗುತ್ತಲೇ ಇರುತ್ತದೆ. ತಾವು ಮಾಡಿದ ಕೆಲಸವನ್ನು ಯಾರೂ ವಿಮರ್ಶೆ ಮಾಡಬಾರದು ಮತ್ತು ಅದನ್ನು ಸರ್ವಶ್ರೇಷ್ಟವೆಂದು ಅವರು ಭಾವಿಸಿರುತ್ತಾರೆ. ಅವರು ಆ ವಿಷಯದಲ್ಲಿ ಎಡವಟ್ಟುಗಳನ್ನೇ ಮಾಡಿರಲಿ. ಅದನ್ನು ಅವರು ತೋರಿಸಿಕೊಳ್ಳುವುದಿಲ್ಲ.
ಇತರರ ಮಾತುಗಳನ್ನು ಕೇಳಿಸಿಕೊಳ್ಳುವುದಿಲ್ಲ.ಎದುರು ಇರುವವರ ಮಾತುಗಳನ್ನು ಕೇಳುವುದಕ್ಕಿಂತ ತಮ್ಮ ಮಾತುಗಳನ್ನು ಹೇಳುವ ಆತುರವೇ ಅವರಲ್ಲಿ ಹೆಚ್ಚಾಗಿದ್ದು, ಎಷ್ಟೋ ಬಾರಿ ಇತರರು ಹೇಳುವ ಮಾತುಗಳಲ್ಲಿ ವಾಕ್ಯವೊಂದು ಪೂರ್ಣವಾಗುವುದಕ್ಕೂ ಬಿಡದೇ ತಾವು ತಮ್ಮದನ್ನು ಹೇಳುತ್ತಿರುತ್ತಾರೆ. ತಾವು ತಮ್ಮ ಕತೆ, ಅನುಭವ, ವಿಚಾರ ಇತ್ಯಾದಿಗಳನ್ನೆಲ್ಲಾ ಇತರರಿಗೆ ಹೇಳುವಂತೆ ತಾವೂ ಇತರರದನ್ನು ಕೇಳುವ ಸಹನೆಯನ್ನೂ, ಔದಾರ್ಯವನ್ನೂ, ಹೋಗಲಿ ಕರುಣೆಯನ್ನೂ ತೋರುವುದಿಲ್ಲ.
ಇಂತಹ ಲಕ್ಷಣವು ಇದ್ದರೆ ಮೊದಲು ನಾವು ಅಭ್ಯಾಸ ಮಾಡಬೇಕಾಗಿರುವುದು ಮೌನ.
ನನ್ನ ಎದುರು ಇರುವವರು ಮಾತನಾಡಿದ ಮೇಲೆ ನಾನು ಮಾತಾಡುತ್ತೇನೆ ಎಂಬ ಸ್ಪಷ್ಟವಾದ ಸಂಕಲ್ಪದಿಂದ ಸಂವಹನಕ್ಕೆ ತೊಡಗಬೇಕು. ಒಂದು ವೇಳೆ ಎದುರಿಗೆ ಇರುವವರೂ ದೇವರೇ ಆಗಿದ್ದರೆ, ಸರಿ, ಹಾಳಾಗಿ ಹೋಗಲಿ ದೇವರು ದೇವರುಗಳ ನಡುವೆ ಯುದ್ಧವೇಕೆ ಎಂದು ಸುಮ್ಮನಾಗುವುದು ಅತ್ಯಂತ ಶ್ರೇಯಸ್ಕರ. ಎಂತೂ ಆ ದೇವರು ಈ ದೇವರ ಮಾತು ಕೇಳುವುದಿಲ್ಲ ಎಂಬ ಅರಿವಾಯಿತಲ್ಲಾ. ಈ ದೇವರು ಬಾಯಿಮುಚ್ಚಿಕೊಂಡು ತನ್ನ ಶಕ್ತಿವ್ಯಯ ಮಾಡದಿರುವಷ್ಟು ಜಾಣ ದೇವರಾಗಬೇಕು.
ಈ ದೇವರುಗಳಿಗೆ ಸಾಮಾನ್ಯವಾಗಿ ಒಳಗೊಳಗೆ ತಮ್ಮನ್ನು ಪ್ರಶಂಸಿಸುವುದಿಲ್ಲ, ತಮ್ಮನ್ನು ಪುರಸ್ಕರಿಸುವುದಿಲ್ಲ ಎಂಬ ಖೇದವು ಯಾವಾಗಲೂ ಕೊರೆಯುತ್ತಿರುವ ಕಾರಣದಿಂದ ಉಗ್ರವಾಗಿಯಾದರೂ ಪ್ರಶಂಸೆಯನ್ನು ಪಡೆಯಬೇಕೆಂದು ಎದುರಿರುವವರನ್ನು ಮಣಿಸುವ ಯತ್ನ ಮಾಡುತ್ತಿರುತ್ತಾರೆ. ಅಷ್ಟೇ ಅಲ್ಲದೆ ತಮ್ಮಿಂದ ಯಾವುದೇ ಲೋಪದೋಷವಾದರೂ ಅದನ್ನು ತಾವೇ ಸಮರ್ಥಿಸಿಕೊಂಡು ಅಥವಾ ಸಮಜಾಯಿಷಿ ನೀಡಿಕೊಂಡು ಅದೇನೂ ಅಂತಹ ಘನವಾದ ಲೋಪವೇನಲ್ಲ ಎಂಬ ನಿರ್ಧಾರಕ್ಕೆ ಬಂದುಬಿಡುತ್ತಾರೆ. ಸರಿ, ಈ ಅರಿಮೆ ಇದೆ ಎಂದು ಅರಿವಾಯಿತು. ಮುಂದೆ? ಅರಿಮೆ ಅಮಲೇರಿಸುವುದಾದರೆ ಅರಿವು ಅಮಲಿಳಿಸುವ ಸಾಧನವಷ್ಟೇ. ಅಮಲಿಲ್ಲದೇ ಅವಧಾನದಲ್ಲಿ ಅಡಿಗಳನ್ನಿಟ್ಟರಾಯಿತು.
ಇಂತೀ ದೈವಿಕ ಅರಿಮೆಯ ಪುರಾಣವು ಮುಕ್ತಾಯವಾದುದು.
(ಮುಂದುವರಿಯುವುದು)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ
250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು
ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ
ಬೆಂಗಳೂರು: ಮಧ್ಯಪ್ರದೇಶ ರಾಜ್ಯದ ಖಾರ್ಗೋನ್ ಜಿಲ್ಲೆಯಲ್ಲಿರುವ ನರ್ಮದಾ ನದಿ ತೀರದಲ್ಲಿ 250ಕ್ಕೂ ಹೆಚ್ಚು ಗಿಳಿಗಳು ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ ಸಾವನ್ನಪ್ಪಿರುವ ಪ್ರಕರಣ ಇಡೀ ದೇಶದಲ್ಲಿ ಇದೇ ಮೊದಲ ಬಾರಿಗೆ ನಡೆದ ದುರ್ಘಟನೆ ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ ಆತಂಕ ವ್ಯಕ್ತಪಡಿಸಿದ್ದಾರೆ.
ಕಳೆದ ಮೂರು ದಿನಗಳಲ್ಲಿ ನರ್ಮದಾ ನದಿ ತೀರದಲ್ಲಿ ಸುಮಾರು ಇನ್ನೂರಕ್ಕೂ ಅಧಿಕ ಗಿಳಿಗಳು ನಿಗೂಢವಾಗಿ ಸಾವನ್ನಪ್ಪಿದ್ದು ಆರಂಭದಲ್ಲಿ ಇದು ಹಕ್ಕಿ ಜ್ವರ ದಿಂದ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿತ್ತು ಆದರೆ ಪಶುವೈದ್ಯಕೀಯ ಅಧಿಕಾರಿ ಡಾ. ಸುರೇಶ್ ಬಫೇಲ್ ಅವರು ನೀಡಿದ ಮಾಹಿತಿ ಪ್ರಕಾರ ಹಕ್ಕಿಗಳ ಹೊಟ್ಟೆಯಲ್ಲಿ ಅಕ್ಕಿ ಕಾಳುಗಳು ಮತ್ತು ಸಣ್ಣ ಕಲ್ಲುಗಳು ಪತ್ತೆಯಾಗಿವೆ. ಅಲ್ಲದೆ ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ 200 ರಿಂದ 50 ಕ್ಕೂ ಅಧಿಕ ಮೃತಪಟ್ಟಿರುವ ಸಾಧ್ಯತೆಗಳು ಹೆಚ್ಚಿವೆ ಎಂದು ಹೇಳಿದ್ದು ಇವರ ಮಾಹಿತಿಯನ್ನು ಆದರಿಸಿ ವಿಶೇಷ ತನಿಖೆ ಮಾಡಬೇಕು ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆಗ್ರಹಿಸಿದೆ.
ಖರ್ಗೋನ್ ಜಿಲ್ಲೆಯ ಬದ್ವಾ ಪ್ರದೇಶದ ನರ್ಮದಾ ನದಿ ತೀರದಲ್ಲಿರುವ ಅಕ್ವೆಡಕ್ಟ್ ಸೇತುವೆಯ ಸಮೀಪ ಈ ಘಟನೆ ಬೆಳಕಿಗೆ ಬಂದಿದ್ದು ಅರಣ್ಯ ಇಲಾಖೆಯು ಸೇತುವೆಯ ಸುತ್ತಮುತ್ತ ಹಕ್ಕಿಗಳಿಗೆ ಆಹಾರ ನೀಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ. ಸದ್ಯ ಹಕ್ಕಿಗಳ ಸಾವಿಗೆ ನಿಖರ ಕರಣ ತಿಳಿಯಲು ಹಕ್ಕಿಗಳ ಅವಶೇಷಗಳನ್ನು ಜಬಲ್ಪುರಕ್ಕೆ ಕಳುಹಿಸಲಾಗಿದೆ. ಸದ್ಯ ಅರಣ್ಯ ಇಲಾಖೆ ಮತ್ತು ಪಶುವೈದ್ಯಕೀಯ ತಂಡಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿವೆ.
ಇನ್ನೊಂದು ಮುಖ್ಯ ವಿಚಾರ ಏನೆಂದರೆ ಪಕ್ಷಿಗಳಿಗೆ ಮನುಷ್ಯರು ಸೇವಿಸುವ ಎಣ್ಣೆ ಪದಾರ್ಥ ಅಥವಾ ಬೇಯಿಸಿದ ಆಹಾರ ನೀಡುವುದು ಅವುಗಳ ಜೀರ್ಣಾಂಗ ವ್ಯವಸ್ಥೆಯ ಮೇಲೆ ಮಾರಕ ಪರಿಣಾಮ ಬೀರುತ್ತದೆ ಎಂದು ಪಶುವೈದ್ಯಕೀಯ ಅಧಿಕಾರಿ ಡಾ. ಮನಿಷಾ ಚೌಹಾಣ್ ಹೇಳಿದ್ದಾರೆ. ಏನೇ ಆದರೂ ನೂರಾರು ಗಿಳಿಗಳು ಸಾವನ್ನಪಿರುವುದು ಮಾತ್ರ ದುರಂತ.
ಈ ಸಂದರ್ಭದಲ್ಲಿ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ, ಹಿರಿಯ ಉಪಾಧ್ಯಕ್ಷರಾದ ಗುರುರಾಜ್ ಹೂಗಾರ್, ಉಪಾಧ್ಯಕ್ಷರಾದ ಯೋಗೀಶ್ ಕುಮಾರ್, ರುದ್ರಮುನಿ, ಡಾ.ಸಿದ್ದಲಿಂಗಪ್ಪ, ಮತ್ತು ಪದಾಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಅಂತರಂಗ
ಭೀಮಾ ಕೋರೆಗಾಂವ ; ಮಹರ್ ಸೈನಿಕರ ವೀರಗಾಥೆ
~ ಡಾ. ಸುಜಾತಾ ಚಲವಾದಿ
ಭಾರತದ ಇತಿಹಾಸದಲ್ಲಿ ಅನೇಕ ಕ್ರೂರ ವ್ಯಂಗ್ಯಗಳಿವೆ. ಅವುಗಳಲ್ಲಿ ಪೇಶ್ವಾಶಾಹಿ ಆಡಳಿತವು ಒಂದು. ಅವರ ಆಡಳಿತ ಸಂದರ್ಭದಲ್ಲಿ ಅಸ್ಪೃಶ್ಯರು ತಮ್ಮ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಬದುಕುವ ಸ್ಥಿತಿಯಿತ್ತು. ಜಾತಿ ವ್ಯವಸ್ಥೆ ವಿಜೃಂಭಿಸುತ್ತಿದ್ದ ಕಾಲವದು.
ದೌರ್ಜನ್ಯ, ಅನ್ಯಾಯಕ್ಕೆ ಒಳಗಾಗಿ ಸದಾ ನೋವಿನ ಬದುಕು ಅಸ್ಪೃಶ್ಯರದ್ದಾಗಿತ್ತು. ಕಿತ್ತುತಿನ್ನುವ ಬಡತನ, ಹಸಿವು, ದಾರಿದ್ರö್ಯ, ಅಶಿಕ್ಷಿತರಾದ ಅಸ್ಪಶ್ಯರು ಅನ್ಯಾಯದ ವಿರುದ್ಧ ಹೋರಾಟ ಮಾಡುವುದು ಕನಸಿನ ಮಾತಾಗಿತ್ತು. ಇವರ ಬಲಹೀನತೆಯನ್ನು ಬಳಸಿಕೊಂಡು ‘ಪ್ರಾಣಿಗಿಂತ ಕೀಳಾಗಿ’ ನಡೆಸಿಕೊಳ್ಳುತ್ತಿದ್ದ ಪೇಶ್ವಾ ಆಡಳಿತವು ಶೂದ್ರರ, ನಿಮ್ನರ ಮೇಲೆ ತಮ್ಮ ಅಟ್ಟಹಾಸವನ್ನು ಮೆರೆಯುತ್ತಿದ್ದರು.
ಅನ್ಯಾಯಕ್ಕೆ ಒಳಗಾದ ಕೆಳಜಾತಿಯ ಮಹಾರರು, ಮಾಂಗರು, ಚಮ್ಮಾರರು ಮತ್ತು ಮಹಿಳೆಯರು ತತ್ತರಿಸಿ ಹೋಗಿದ್ದರು. ಮಹಾರಾಷ್ಟçದ ಪೇಶ್ವಾಶಾಹಿ ಕಾಲಘಟ್ಟದಲ್ಲಿ ನಡೆದ ಭೀಮಾ ಕೋರೆಗಾಂವ ಚಳವಳಿಯನ್ನು ಬರಹದ ರೂಪದಲ್ಲಿ ಬಾಬಾಸಾಹೇಬ ಅಂಬೇಡ್ಕರ್ ನಮ್ಮ ಮುಂದೆ ಇರಿಸಿದ್ದಾರೆ.
1ನೇ ಜನವರಿ 1818ರಲ್ಲಿ ಅಂದರೆ ಇಂದಿಗೆ 207 ವರ್ಷಗಳ ಹಿಂದೆ 28,000 ಸಾವಿರ ಸಂಖ್ಯೆಯ ಪೇಶ್ವಾಸೈನ್ಯದ ಎದುರು ಐದುನೂರು ಮಹಾರ ಜನಾಂಗದವರು ಹೋರಾಡಿ ವಿಜಯ ಸಾಧಿಸಿದ ದಿನ ಕೋರೆಗಾಂವ್ ಯುದ್ಧ ‘ನ್ಯಾಯದ ಯುದ್ಧ’, ಇಡೀ ಪರಿಶಿಷ್ಟ ಜಾತಿಯವರಿಗೆ ಸ್ವಾಭಿಮಾನದ ಸಂಕೇತವಾಗಿ ಪರಿಣಮಿಸಿದೆ.
ಈ ದಿನವನ್ನು ಯಾವ ಮಹಾರರೂ ಮರೆಯುವ ಹಾಗಿಲ್ಲ. ಬಾಬಾಸಾಹೇಬರು ಈ ದಿನದ ಸ್ಮರಣೆಯನ್ನು “ದಲಿತರ ಪರಾಕ್ರಮ ದಿನ”ವೆಂದು ತಿಳಿದು ಕೋರೆಗಾಂವನಲ್ಲಿ ನಿರ್ಮಿಸಿದ ವಿಜಯಸ್ತಂಭ ಸ್ಮಾರಕಕ್ಕೆ ವಂದಿಸಲು ಪ್ರತೀ ವರ್ಷ ಜನವರಿ 1 ರಂದು ತಪ್ಪದೇ ಹೋಗಿ ಬರುತ್ತಿದ್ದರು. ಜಾತಿಪದ್ಧತಿಯೇ ಪ್ರಧಾನವಾದ ಕಾಲದಲ್ಲಿ ಅಸ್ಪಶ್ಯರ ಸ್ಥಿತಿ ತುಂಬಾ ಹದಗೆಟ್ಟು ಹೋಗಿತ್ತು. ಮೇಲು-ಕೀಳು ಎಂಬ ಭಾವನೆ ಏರುಮುಖದಲ್ಲಿದ್ದ ಕಾಲ.
ಮನುಸ್ಮೃತಿಯನ್ನು ಚಾಚೂ ತಪ್ಪದೇ ಮುನ್ನಡೆಸಿಕೊಂಡು ಬರುವ ಮೇಲ್ವರ್ಗದವರು ಅಸ್ಪೃ್ಪಶ್ಯರನ್ನು ಕಂಡರೆ ಅನೇಕ ಬಗೆಯ ಶಿಕ್ಷೆಗೆ ಒಳಗು ಮಾಡುತ್ತಿದ್ದರು. ಅಸ್ಪೃಶ್ಯರನ್ನು ಕಂಡರೆ ಮೈಲಿಗೆಯಾಗುತ್ತದೆ ಎನ್ನುವ ಮನಸ್ಥಿತಿ ಅವರದ್ದು, ಅಸ್ಪೃಶ್ಯ ರಸ್ತೆಗೆ ಇಳಿಯಕೂಡದು, ಒಳ್ಳೆ ಬಟ್ಟೆ ಹಾಕಿಕೊಳ್ಳುವ ಹಾಗಿಲ್ಲ, ಒಳ್ಳೆಯ ಆಹಾರ ಸೇವನೆಯಂತೂ ಕನಸಿನ ಮಾತಾಗಿತ್ತು. ಊರ ಪ್ರವೇಶಕ್ಕೆ ಸಮಯ ನಿಗದಿ ಮಾಡಿದ್ದರು.
ಸೂರ್ಯೋದಯ, ಸೂರ್ಯಾಸ್ತದ ಸಂದರ್ಭದಲ್ಲಿ ಅಸ್ಪೃಶ್ಯ ವ್ಯಕ್ತಿ ಊರಲ್ಲಿ ಬರುವಂತಿರಲಿಲ್ಲ. ಸೂರ್ಯ ನೆತ್ತಿಯ ಮೇಲಿದ್ದಾಗ ಮಾತ್ರ ಊರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಬೀದಿಯಲ್ಲಿ ಹೋಗಬೇಕಾದರೆ ಕೊರಳಿಗೆ ಮಣ್ಣಿನ ಸಣ್ಣ ಕುಡಿಕೆಯನ್ನು ಹಾಕಿಕೊಂಡು ಹೋಗಬೇಕು, ಉಗುಳುವ ಸಂದರ್ಭ ಬಂದರೆ, ಅದೇ ಕುಡಿಕೆಯಲ್ಲಿಯೇ ಉಗುಳಿಕೊಳ್ಳಬೇಕು. ಕಾರಣ ರಸ್ತೆಯಲ್ಲಿ ಅಸ್ಪೃಶ್ಯರು ಉಗುಳಿದರೆ ಅವನ ಹೇಸಿಗೆಯನ್ನು ಸವರ್ಣೀಯರು ತುಳಿಯಬಾರದು.
ತುಳಿದರೆ ಮೈಲಿಗೆಯಾಗುತ್ತಿತ್ತು. ರಸ್ತೆಯಲ್ಲಿ ನಡೆಯುವಾಗ ಆತನ ನೆರಳು ಅವನ ಕಾಲಲ್ಲಿಯೇ ಉಳಿಯುವ ಹಾಗೇ ಮಧ್ಯಾಹ್ನದ ನೆತ್ತಿ ಸುಡುವ ಬಿಸಿಲಿನಲ್ಲಿ ಮಾತ್ರ ಊರಲ್ಲಿ ಬರಬೇಕು. ನಡೆದುಕೊಂಡು ಹೋಗುವಾಗ ಹೆಜ್ಜೆ ಗುರುತುಗಳು ಕಾಣದಿರಲಿ ಎಂದು ಬೆನ್ನಿಗೆ ಮುಳ್ಳಿನ ಪೊರಕೆಯನ್ನು ಕಟ್ಟಿಕೊಂಡು ಸಾಗಬೇಕಾದ ಸ್ಥಿತಿ ಅವರದಾಗಿತ್ತು. ಹಾಗೇ ಅಸ್ಪೃಶ್ಯನೊಬ್ಬ ಬರುವುದನ್ನು ‘ಸಂಭೋಳಿ ಸಂಭೋಳಿ ಮಾಯ್ ಬಾಪ್ ಹೊಲೆಯ ಬರುತ್ತಿದ್ದೇನೆ’ ಅಂತಾ ಕೂಗಿ ಹೇಳಬೇಕು. ಇಲ್ಲ, ಕೈಯಲ್ಲಿ ಗೆಜ್ಜೆಕಟ್ಟಿದ ಕೋಲನ್ನು ಹಿಡಿದುಕೊಂಡು ನೆಲಕ್ಕೆ ಕುಕ್ಕಿಸಿಕೊಂಡು ಸದ್ದು ಮಾಡುತ್ತ ಹೋಗಬೇಕು.
ಇದಲ್ಲದೆ ಅಸ್ಪೃಶ್ಯ ಊರ ಪ್ರವೇಶ ಮಾಡಿದಾಗ ಯಾರಾದರೂ ಎದುರು ಬಂದರೆ ಸುಡುವ ಬಿಸಿಲಲ್ಲಿ ಓಡಿ ಹೋಗಿ ಭೂಮಿಯನ್ನು ಅಪ್ಪಿಕೊಳ್ಳಬೇಕು. ಸವರ್ಣೀಯರಿಗೆ ಅವನ ನೆರಳೂ ಸ್ಪರ್ಶ ಮಾಡುವಂಗಿರಲಿಲ್ಲ. ಇಂತಹ ಅಮಾನವೀಯ ನಿಯಮಗಳನ್ನು ಹೊರಡಿಸಿದ ಕಾಲಘಟ್ಟವದು. ಇಷ್ಟೆಲ್ಲಾ ನಿಯಮಗಳನ್ನು ಅಸ್ಪಶ್ಯರ ಮೇಲೆ ಹೇರಿದರೂ ಕೂಡಾ ಮಹಾರ್ ಸೈನಿಕರು ತಮ್ಮ ಪ್ರಾಣವನ್ನು ಲೆಕ್ಕಿಸದೆ ಮೊಗಲರ ಬೃಹತ್ ಸೈನ್ಯದ ವಿರುದ್ಧ ಹೋರಾಡಿ ಪೇಶ್ವೆಗಳ ಪರವಾಗಿ ಯುದ್ಧಕ್ಕೆ ಸನ್ನದ್ಧರಾಗಿದ್ದರು. ಮಹಾರ್ ಸೈನಿಕರ ಶೌರ್ಯದಿಂದಲೇ ಪೇಶ್ವೆಗಳ ಆಡಳಿತ ಸುಗಮವಾಗಿ ನಡೆಯುತ್ತಿತ್ತು. ಆದರೆ ಪೇಶ್ವಗಳು ಮತ್ತು ಸವರ್ಣೀಯರು ಮಹಾರ್ಸೈನಿಕರನ್ನು ತುಚ್ಛವಾಗಿ ನಡೆಸಿಕೊಳ್ಳುತ್ತಿದ್ದರು.
1758 ರಲ್ಲಿ ಬ್ರಿಟಿಷರು ಈಸ್ಟ್ ಇಂಡಿಯಾ ಕಂಪನಿಯನ್ನು ಸ್ಥಾಪಿಸಿದ ನಂತರ ಮಹಾರ್ ಜನರನ್ನು ಸೈನಿಕರಾಗಿ ನೇಮಕ ಮಾಡಿಕೊಳ್ಳಲು ಪ್ರಾರಂಭಿಸಿದರು. ಭಾರತೀಯ ಮಹಾರ್ ಸೈನಿಕರಿಗೆ ಶಿಕ್ಷಣದ ಅವಕಾಶವನ್ನು ಮಾಡಿಕೊಟ್ಟಿದ್ದರ ಪರಿಣಾಮ ಸ್ವಲ್ಪ ಮಟ್ಟಿಗೆ ತಿಳಿವಳಿಕೆ ಮೂಡಲು ಸಹಾಯವಾಯಿತು. ತಮ್ಮ ಹಕ್ಕು-ಬಾಧ್ಯತೆಗಳನ್ನು ತಿಳಿಯುವಂತಾಯಿತು. ಬ್ರಿಟಿಷರಲ್ಲಿ ಇರದ ಜಾತಿವ್ಯವಸ್ಥೆ ನಮ್ಮ ದೇಶದಲ್ಲಿ ಕಂಡ ಮಹಾರ್ ಸೈನಿಕರು ಬ್ರಿಟಿಷರಿಗೆ ತಮ್ಮ ಬೆಂಬಲವನ್ನು ನೀಡುವಂತಾಯಿತು. ಅವಮಾನ, ಅನ್ಯಾಯ, ದೌರ್ಜನ್ಯಕ್ಕೆ ಒಳಗಾದ ಮಹಾರ್ ಜನಾಂಗದವರು, ಈ ಎಲ್ಲದರಿಂದ ಮುಕ್ತಿ ಕಾಣಲು ಬ್ರಿಟಿಷರ ಪರವಾಗಿ ಯುದ್ಧಗಳಲ್ಲಿ ಹೋರಾಡಲು ಪ್ರಾರಂಭಿಸಿದರು.
ಎರಡನೆಯ ಬಾಜೀರಾವ್ ಪೇಶ್ವೆಯ ರಾಜ್ಯಾಡಳಿತವಿದ್ದ ಸಂದರ್ಭದಲ್ಲಿ 31 ನೇ ಡಿಸೆಂಬರ್ 1817 ರ ರಾತ್ರಿ ಬ್ರಿಟಿಷರ ಸೇನಾಪತಿ ಕ್ಯಾಪ್ಟನ್ ಫ್ರಾನ್ಸಿಸ್ ಸ್ಟಂಡನ್ ಮುಂದಾಳತ್ವದಲ್ಲಿ ಸೇನೆ ಪೇಶ್ವೆಗಳ ಮೇಲೆ ದಾಳಿ ಮಾಡಲು ಸಿದ್ಧಗೊಂಡಿತು. ಇದನ್ನು ತಿಳಿದ ಮಹಾರ್ ಬೆಟಾಲಿಯನ್ನಿನ ನಾಯಕ ಸಿದ್ಧನಾಕ ಮಾರುವೇಷದಲ್ಲಿ ಪೇಶ್ವೆಯನ್ನು ಕಾಣುತ್ತಾನೆ. ಆಗ ಪೇಶ್ವೆ ಮಹಾರ್ ಬೆಟಾಲಿಯನ್ನಿನ ನಾಯಕ ಸಿದ್ಧನಾಕನನ್ನು ಒಳಗೆ ಬಿಟ್ಟವನನ್ನು ಕೊಲ್ಲಿಸುತ್ತಾನೆ. ಇಂಗ್ಲಿಷರು ನಿಮ್ಮ ಮೇಲೆ ಯುದ್ಧ ಮಾಡುವರಿದ್ದಾರೆ, ನೀವು ನಮ್ಮ ಹಕ್ಕುಗಳನ್ನು ನಮಗೆ ನೀಡುವುದಾದರೆ ನಿಮ್ಮ ಪರವಾಗಿ ಅವರ ವಿರುದ್ಧ ನಾವು ಹೋರಾಡುತ್ತೇವೆ ಎನ್ನುತ್ತಾನೆ. “ನಿಮ್ಮ ಹಕ್ಕುಗಳು ಯಾವವು? ನೀನು ಇನ್ನೊಂದು ಘಳಿಗೆ ಇಲ್ಲಿ ನಿಂತರೆ ನಿನ್ನ ಶಿರಚ್ಛೇದನ ಮಾಡುತ್ತೇನೆ” ಎಂದು ಗದರುತ್ತಾನೆ. ಸಿದ್ಧನಾಕ ಮರಳಿ ಬಂದು ಅಲ್ಲಿ ನಡೆದ ಎಲ್ಲ ವಿವರ ಸಂಗಾತಿಗಳಿಗೆ ನೀಡುತ್ತಾನೆ. ಅಂತಿಮವಾಗಿ ಇಂಗ್ಲಿಷರ ಪರವಾಗಿ ಮಹಾರ್ ಬೆಟಾಲಿಯನ್ ಹೋರಾಡಲು ಸಿದ್ಧವಾಗುತ್ತದೆ. ಪೇಶ್ವೆಗಳ ಸೈನ್ಯ ಕೋರೆಗಾಂವ್ ಪ್ರದೇಶದ ಭೀಮಾನದಿಯ ಬಲದಂಡೆಯ ಮೇಲೆ ಯುದ್ಧಕ್ಕೆ ಸಜ್ಜಾಗಿ ಸುತ್ತುವರೆದು ನಿಂತುಕೊಂಡಿತು. ಮಹಾರ್ ರೆಜಿಮೆಂಟ್ ಸೈನ್ಯ ಬ್ರಿಟಿಷರ ಪರವಾಗಿ ಯುದ್ಧಕ್ಕೆ ಸಜ್ಜಾಗಿದ್ದರು.
ಪೇಶ್ವೆಗಳ ಸೇನೆಯು 25,000 ಕುದುರೆ ಸವಾರರು ಮತ್ತು 3,000 ಕ್ಕಿಂತಲೂ ಹೆಚ್ಚು ಸಂಖ್ಯೆಯಲ್ಲಿದ್ದ ಯೋಧರಿಂದ ತುಂಬಿ ತುಳುಕುತ್ತಿತ್ತು. ಎರಡೂ ಸೇನೆಗಳ ನಡುವೆ ಘನಘೋರ ಯುದ್ಧ ಪ್ರಾರಂಭವಾಗುತ್ತದೆ. ಬೃಹತ್ ಸೇನೆಯ ವಿರುದ್ಧ ಬ್ರಿಟಿಷ್ ಸೇನಾಪತಿ ಕ್ಯಾಪ್ಟನ್ ಪ್ರಾನ್ಸಿಸ್ ಸ್ಟಂಡನ್ ತಾನು ಸೋಲುತ್ತೇನೆ ಎಂದುಕೊAಡು ನಿರಾಶೆಯನ್ನು ತಳೆದಿದ್ದ. ಆದರೂ ಎದುರಾಳಿಯ ಜೊತೆ ಯುದ್ಧದಲ್ಲಿ ಮುನ್ನುಗ್ಗುವುದು ಆತನ ವಿಚಾರವಾಗಿತ್ತು. “ಮಹಾರ್ ಸೈನಿಕರು ವೀರಾವೇಶದಿಂದ ಹೋರಾಡಿ ಪೇಶ್ವೆಗಳು ಪಲಾಯನ ಗೈಯ್ಯಲು ಕಾರಣರಾದರು. ಈ ಯುದ್ಧದಲ್ಲಿ ಎರಡನೆಯ ಬಾಜಿರಾವ್ ಪೇಶ್ವೆಯು ಪಲಾಯನ ಮಾಡುವುದರಲ್ಲಿ ಮೊದಲಿಗ”ನೆಂದು ಬಾಬಾಸಾಹೇಬರು ತಮ್ಮ ಬರಹದಲ್ಲಿ ದಾಖಲಿಸಿದ್ದಾರೆ.
ಬೆಳಿಗ್ಗೆ ಆರು ಗಂಟೆಗೆ ಪ್ರಾರಂಭವಾದ ಯುದ್ಧ ರಾತ್ರಿ ಆರು ಗಂಟೆಗೆ ಮುಕ್ತಾಯಗೊಳ್ಳುತ್ತದೆ. ಸಂಖ್ಯೆಯಲ್ಲಿ ಅಲ್ಪವಾಗಿದ್ದರೂ ಅತ್ಯಂತ ಕೆಚ್ಚಿನಿಂದ ಕಲಿತನ ಪ್ರದರ್ಶಿಸಿದ ಮಹಾರ್ ಯೋಧರು, ತಮ್ಮ ಮೇಲೆ ಅಮಾನವೀಯವಾದ ಅಸ್ಪೃಶ್ಯತೆಯನ್ನು ಹೇರಿದ್ದ ಪೇಶ್ವೆ ಆಡಳಿತವನ್ನು ಯುದ್ಧದಲ್ಲಿ ಮಣ್ಣು ಮುಕ್ಕಿಸಿದರು. ಮಹಾರ್ ಸೈನಿಕರ ಅಭೂತಪೂರ್ವ ಕಲಿತನದ ಕಾರಣದಿಂದಲೇ ಬ್ರಿಟಿಷರು ಕೋರೆಗಾಂವ್ ಯುದ್ಧವನ್ನು ಗೆಲ್ಲಲು ಸಾಧ್ಯವಾಯಿತು. ಗೆಲುವಿಗೆ ಕಾರಣರಾದ, ಕದನದಲ್ಲಿ ಹುತಾತ್ಮರಾದ ಯೋಧರನ್ನು ಸದಾಕಾಲ ಸ್ಮರಿಸುವಂತೆ ಕೋರೆಗಾಂವನ ಭೀಮಾನದಿ ತೀರದ ಪ್ರಶಸ್ತವಾದ ಮೈದಾನ, ಕದನದ ಕಿಡಿ ಮೊಟ್ಟ ಮೊದಲು ಹೊತ್ತಿದ ಸ್ಥಳದಲ್ಲಿ ಬ್ರಿಟಿಷರು ಸ್ಮರಣ ಸ್ತಂಭವನ್ನು ಸ್ಥಾಪಿಸಿದರು.
26 ನೆಯ ಮಾರ್ಚ್ 1821 ರಲ್ಲಿ ಈ ಭವ್ಯ ವಿಜಯಸ್ತಂಭಕ್ಕೆ ಅಡಿಗಲ್ಲು ಹಾಕಿದಾಗ ಬಂದೂಕು ಮತ್ತು ತೋಪುಗಳ ಮೂಲಕ ಹುತಾತ್ಮರಿಗೆ ರಾಜಮರ್ಯಾದೆಯ ಶ್ರದ್ಧಾಂಜಲಿ ಸಲ್ಲಿಸಲಾಯಿತು. 63 ಅಡಿ ಎತ್ತರ ಇರುವ ಈ ವಿಜಯಸ್ತಂಭವು 1822 ರಲ್ಲಿ ಪೂರ್ಣವಾಗಿ ನಿರ್ಮಾಣವಾಯಿತು. ಮೊದಲಿಗೆ ಈ ಸ್ತಂಭವನ್ನು ಮಹಾರ್ ಸ್ತಂಭವೆAದು ಕರೆಯಲಾಗುತ್ತಿತ್ತು. ನಂತರದಲ್ಲಿ ವಿಜಯಸ್ತಂಭವೆಂದು ಹೆಸರಿಸಲಾಯಿತು.
ವಿಜಯಸ್ತಂಭದ ಮೇಲೆ 20 ಮಹಾರ್ ಸೈನಿಕರ ಹೆಸರುಗಳನ್ನು ಕೆತ್ತಿಸಲಾಗಿದೆ. ಪ್ರತಿವರ್ಷ ಜನೆವರಿ 1 ರಂದು ಬಾಬಾಸಾಹೇಬರು ಕೋರೆಗಾಂವ್ ವಿಜಯಸ್ತಂಭಕ್ಕೆ ಭೇಟಿ ಕೊಟ್ಟು ನಮನವನ್ನು ಸಲ್ಲಿಸುತ್ತಿದ್ದರು. ಇಂತಹ ಐತಿಹಾಸಿಕ ವಿಜಯದ ಸಂಕೇತವಾದ ಕೋರೆಗಾಂವ ಚಳವಳಿಯನ್ನು ಮತ್ತೆ ಮತ್ತೆ ನೆನೆಯುವುದು ಇಂದಿನ ಅನಿವಾರ್ಯವೂ ಹೌದು. ಏಕೆಂದರೆ ಬಾಬಾಸಾಹೇಬರೇ ಹೇಳಿದ ಹಾಗೆ “ಇತಿಹಾಸವನ್ನು ತಿಳಿಯದವನು ಇತಿಹಾಸವನ್ನು ಸೃಷ್ಟಿಸಲು ಸಾಧ್ಯವಾಗದು” ಎಂದಿದ್ದಲ್ಲದೆ ದಲಿತರಾರೂ ಕುರಿಗಳಲ್ಲ, ಅವರು ಹುಲಿಗಳು’ ಎಂದು ಹೇಳಿರುವುದನ್ನು ಮತ್ತೆ ಮತ್ತೆ ಮನನಿಸಬೇಕಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಕುವೆಂಪು ಅವರಿಗೆ ಲಂಕೇಶರ ಎಂಟು ಪ್ರಶ್ನೆಗಳು
ಕುವೆಂಪು ಅವರನ್ನು ನಾನು ಅಂದು ನೋಡಿದ್ದು ಎರಡನೆ ಸಲ. ನಾನು ನೋಡಲು ಬಂದಿರುವ ವಿಷಯ ತಿಳಿದು ಕೈಯಲ್ಲಿ ನನ್ನ ಪ್ರಶ್ನೆ ಮತ್ತು ತಮ್ಮ ಉತ್ತರಗಳಿಂದ ಕೂಡಿದ ಟೈಪ್ ಮಾಡಿದ ಹಾಳೆಗಳನ್ನು ಹಿಡಿದುಕೊಂಡು ಬಂದರು. ನಾನು ಮತ್ತು ಮಿತ್ರ ನೆಲಮನೆ ದೇವೇಗೌಡರು ನಮಸ್ಕರಿಸಿದೊಡನೆ ಕೂತು ಪ್ರಶ್ನೆ ಮತ್ತು ಉತ್ತರಗಳನ್ನು ಓದುತ್ತ ವಿವರಿಸತೊಡಗಿದರು.
ತಮಗೆ ಯಾವುದೇ ಜಾತಿಯ ಬಗ್ಗೆ ಒಣ ಅಭಿಮಾನವಾಗಲಿ ಅನಗತ್ಯ ಪೂರ್ವಗ್ರಹವಾಗಲಿ ಇಲ್ಲವೆಂದು ಸ್ಪಷ್ಟಪಡಿಸಿದರು. ಅವರ ಮಾತಿನಲ್ಲಿ ತಮ್ಮ ಉತ್ತರಗಳು ಜನಕ್ಕೆಲ್ಲಿ ತಿಳಿಯುವುದಿಲ್ಲವೋ ಎಂಬ ಆತಂಕವಿದ್ದಂತಿತ್ತು. ಆದ್ದರಿಂದ ತಮ್ಮ ಕೃತಿಗಳಿಂದ ಉದಾಹರಣೆ ಎತ್ತಿಕೊಂಡು ಮಾತಾಡಿದರು. ನಾನು ಅವೆಲ್ಲವನ್ನೂ ಓದಿದ್ದೆನಾದ್ದರಿಂದ ಆ ವಿವರಣೆ ಅನಗತ್ಯವಾಗಿತ್ತು. ಆದರೆ ಕುವೆಂಪು ಅವರಿಗೆ ಅದಮ್ಯ ಉತ್ಸಾಹವಿದೆ; ಈ ಸಮಾಜದ ಕೆಡಕುಗಳ ಬಗ್ಗೆ ಕೋಪವಿದೆ. ತಾವು ಎಷ್ಟೇ ಬರೆದರೂ ಮಾತಾಡಿದರೂ ಈ ಜನತೆ ಸರಿಹೋಗುತ್ತದೋ ಇಲ್ಲವೋ ಎಂಬ ಸಂದೇಹವಿದೆ. ಆದ್ದರಿಂದಲೇ ಹಲವೊಮ್ಮೆ ವ್ಯಗ್ರವಾಗಿ ಮಾತಾಡುತ್ತಾರೆ. ಅವರು ನನ್ನ ಪ್ರಶ್ನೆಗಳಿಗೆ ಉತ್ತರ ಹೇಳುತ್ತ ಹೊಸ ಸಾಹಿತ್ಯದ ಬಗ್ಗೆ ಮಾತಾಡಿರುವುದನ್ನೂ ಈ ಅರ್ಥದಲ್ಲೇ ತೆಗೆದುಕೊಳ್ಳಬೇಕೆಂದು ಕಾಣುತ್ತದೆ.
ಕಿರಿಯ ಲೇಖಕರು ಯಾರಿಗೂ ಅರ್ಥವಾಗದ ಗೊಂದಲಗಳಲ್ಲಿ ಸಿಲುಕಿಕೊಂಡು ತಮ್ಮನ್ನು ತಾವು ಮೋಸಗೊಳಿಸಿಕೊಳ್ಳುವ ಬದಲು ಸಮಾಜಕ್ಕೆ ತಮ್ಮನ್ನು ತಾವು ತೆರೆದುಕೊಳ್ಳಬೇಕೆಂದೂ ಸಮಾಜದ ಅನಿಷ್ಟಗಳನ್ನು ಸರಿಪಡಿಸಬೇಕೆಂದೂ ಅವರು ಸೂಚಿಸುತ್ತಾರೆ. ಇದು ಕಿರಿಯ ಬರಹಗಾರರು ಅನುಭವ ಪಡೆಯುವ ಬಗ್ಗೆ ಉತ್ತಮ ಹಿತವಚನ. ಇನ್ನೊಂದು ಬಗೆಯಲ್ಲಿ ಇದು ನೀತಿ ಪಾಠ. ಇವೆರಡೂ ಕುವೆಂಪು ಮಾತುಗಳಲ್ಲಿರುವುದು ಎಂಥವರಿಗೂ ಕಂಡು ಬರುತ್ತದೆ.
ಆವೊತ್ತು ಮಾತಾಡುವ ಮೂಡಲ್ಲಿದ್ದರು ಕುವೆಂಪು ನಾವಿಬ್ಬರೂ ಕೆಲಸದ ಮೂಡಿನಲ್ಲಿದ್ದೆವು. ಅವರು ತಮ್ಮ ‘ರಾಮಾಯಣ ದರ್ಶನಂ’ನಿಂದ ಓದಿ ತೋರಿಸುವುದಾಗಿ ಸೂಚಿಸಿ ಬೇರೊಂದು ವಿಷಯ ಎತ್ತಿಕೊಂಡು ವಿವರಿಸತೊಡಗಿದರು. ‘ಪಾಂಚಾಲಿ’ ವಿವಿಧ ತೊಡಕುಗಳಲ್ಲಿ ಸಿಲುಕಿದ್ದ ನಾನು ಮತ್ತು ದೇವೇಗೌಡರು ನಮಸ್ಕಾರ ಹೇಳಿ ಹೊರಬಿದ್ದೆವು.
ಕುವೆಂಪು ಒಂದು ಸಂಸ್ಥೆ ಅಥವಾ ದೇವತೆಯಾಗಿ ಹುಂಬರ ಮನಸ್ಸಿನಲ್ಲಿ ಬೆಳೆಯುತ್ತಿದ್ದ ವೇಳೆಗೆ ಸರಿಯಾಗಿ ಅವರು ಮೈಕೊಡವಿಕೊಂಡು ಹೊರಬಂದು ಮನುಷ್ಯರೂ ವಿಚಾರವಾದಿಗಳೂ ಆಗಿ ಮಾತಾಡುತ್ತಿದ್ದುದು ನನಗೆ ಸಂತಸ ಉಂಟುಮಾಡಿತ್ತು.
——————————————————————-
ಲಂಕೇಶ್: ಸಾಮಾನ್ಯವಾಗಿ ಸಾರ್ವಜನಿಕ ಸಭೆಗಳಲ್ಲಿ ಮತ್ತು ವಾದವಿವಾದಗಳಲ್ಲಿ ಭಾಗವಹಿಸದ ತಾವು ಈಚೆಗೆ ಹೀಗೆ ಭಾಗವಹಿಸುವ ಮೂಲಕ ತಮ್ಮ ವಿಶಿಷ್ಟ ಬಗೆಯ ಕೀರ್ತಿಗೆ ಕಳಂಕ ತಂದುಕೊಳ್ಳುತ್ತಿರಬಹುದೇ ಎಂಬ ಅಳುಕು ತಮ್ಮ ಅಭಿಮಾನಿಗಳಲ್ಲಿ ಕೆಲವರಿಗಿದೆ. ಈ ಬಗ್ಗೆ ತಮ್ಮ ಅಭಿಪ್ರಾಯವೇನು?
ಕುವೆಂಪು: ಕೀರ್ತಿಗಿಂತಲೂ ನನಗೆ ಹೆಚ್ಚು ಪ್ರಿಯವಾದದ್ದು ಸತ್ಯ. ಸತ್ಯ ಹೇಳಿದರೆ ಕಲುಷಿತವಾಗುವ ಕೀರ್ತಿ ಭ್ರಷ್ಟಾಚಾರದ ವಸ್ತುವಾಗುತ್ತದೆ. ಅಲ್ಲದೆ ‘ಕೀರ್ತಿಶನಿ’ ಎಂಬ ನನ್ನ ಸಾನೆಟ್ಟಿನಲ್ಲಿ ಅನೇಕ ವರ್ಷಗಳ ಹಿಂದೆಯೇ ನಾನು ಅದನ್ನು ‘ತೊಲಗಾಚೆ’ ಎಂದು ತೊಲಗಿಸಿದ್ದೇನೆ. ಆದರೂ, ಶ್ರೀ ಎ.ಆರ್. ಕೃಷ್ಣಶಾಸ್ತ್ರಿಗಳು ಹೇಳಿದಂತೆ, ಶನಿ ಒಮ್ಮೆ ಬೆನ್ನು ಹತ್ತಿದರೆ ಬಿಡುವುದಿಲ್ಲವಂತೆ. ನನ್ನ ಮತ್ತೊಂದು ಸಾನೆಟ್ ‘ಯಶೋಲಕ್ಷ್ಮಿ’ ಈ ವಿಚಾರವಾಗಿ ನನ್ನ ಭಾವನೆ ಏನು ಎಂಬುದನ್ನು ತಿಳಿಸುತ್ತದೆ. ಕೀರ್ತಿ ಕಲುಷಿತವಾಗುವುದಿರಲಿ ಅಪಕೀರ್ತಿಯೆ ಬಂದರು ಸತ್ಯ ಹೇಳುವುದನ್ನು ಬಿಡುವುದಿಲ್ಲ.
ಲಂಕೇಶ್: ಕೆಟ್ಟಿರಲಿ, ಕೆಡದಿರಲಿ ಭಾರತೀಯ ಸಂಸ್ಕೃತಿಯೆಂದರೆ ವೈದಿಕ ಸಂಸ್ಕೃತಿಯೇ ಎಂಬ ಅಭಿಪ್ರಾಯದ ಬಗ್ಗೆ ನಿಮಗೇನೆನ್ನಿಸುತ್ತದೆ?
ಕುವೆಂಪು: ಇದೊಂದು ತಪ್ಪು ಅಭಿಪ್ರಾಯ. ಭಾರತೀಯ ಸಂಸ್ಕೃತಿ ಬರಿಯ ವೈದಿಕವಲ್ಲ. ಅವೈದಿಕವೂ ಅದರ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ. ಬೌದ್ಧ, ಜೈನಗಳಲ್ಲದೆ ನ್ಯಾಯ, ವೈಶ್ಲೇಷಿಕ, ಸಾಂಖ್ಯ, ಯೋಗ ದರ್ಶನಗಳೂ ವೇದದ ಪರಮ ಪ್ರಾಮಾಣ್ಯವನ್ನು ಅವಿಚಾರಕವಾಗಿ ಒಪ್ಪಬೇಕು ಅನ್ನುವುದಿಲ್ಲ. ನನ್ನದು ವಿಶ್ವಸಂಸ್ಕೃತಿ. ಅಭಾರತೀಯವೂ ಅದರಲ್ಲಿ ಸೇರಿದೆ. ಸನಾತನವೂ (ಪುರಾತನ ಅಲ್ಲ.) ಶಾಶ್ವತವೂ ಆಧ್ಯಾತ್ಮಿಕವೂ ವಿಚಾರ ಮತ್ತು ವಿಜ್ಞಾನಗಳಿಗೆ ಅವಿರುದ್ಧವೂ ಆಗಿರುವ ಸತ್ಯ ಎಲ್ಲಿಯೇ ಇರಲಿ ಅದನ್ನು ನಾನು ಸ್ವೀಕರಿಸಿದ್ದೇನೆ.
ಲಂಕೇಶ್: ಬ್ರಾಹ್ಮಣ ಜಾತಿಯಲ್ಲಿ ಹಲವು ಒಳಪಂಗಡಗಳಿದ್ದರೂ ಕೇವಲ ಒಂದು ಪಂಗಡವನ್ನು ನೀವು ಟೀಕಿಸಿದ್ದು ಕೇವಲ ಉದಾಹರಣೆಗೋ ಅಥವಾ ಆ ಪಂಗಡ ತೀರಾ ಮಲಿನಗೊಂಡಿದೆ ಎಂಬ ಕಾರಣಕ್ಕೋ?
ಕುವೆಂಪು: ನನ್ನ ಭಾಷಣ ಬ್ರಾಹ್ಮಣರಿಗಾಗಲಿ, ಮಾಧ್ವರಿಗಾಗಲೀ ನಿರ್ದೆಶಿಸಿದ್ದಲ್ಲ; ಒಕ್ಕೂಟದವರಿಗಾಗಿ ಮಾತ್ರ. ಜಗತ್ತಿನ ಪುರೋಹಿತಶಾಹಿ ಅವೈಚಾರಿಕ ಮತ್ತು ಅವೈಜ್ಞಾನಿಕ ಮೂಢ ಭಾವನೆಗಳ ಆಶ್ರಯದಲ್ಲಿ ಶ್ರೀ ಸಾಮಾನ್ಯರನ್ನು ಹೇಗೆ ವಂಚಿಸುತ್ತಾ ಬಂದಿದೆ ಎನ್ನುವುದನ್ನು ಕುರಿತು ವಿಚಾರವಾದಿಗಳಾಗಿ ಬಾಳನ್ನು ನಡೆಸಬೇಕು ಎನ್ನುವ ತರುಣರಿಗೆ ತಿಳಿಸುತ್ತಿದ್ದೆ. ಪ್ರಾಸಂಗಿಕವಾಗಿ, ನಾನು ಕೆಲವೇ ದಿನಗಳ ಹಿಂದೆ ಆ ಪುಸ್ತಕಗಳನ್ನು ಓದುತ್ತಿದ್ದು ಸಂಗತಿ ಮನಸ್ಸಿನಲ್ಲಿ ಹೊಚ್ಚ ಹೊಸದಾಗಿ ಇದ್ದುದರಿಂದ ಮಧ್ವ-ಜಯತೀರ್ಥರ ನಿದರ್ಶನಗಳನ್ನು ಕೊಟ್ಟೆನಷ್ಟೆ; ಆಮೇಲೆ ಗುಲ್ಲೆದ್ದ ಮತಭ್ರಾಂತರ ಗಲಾಟೆಯಿಂದಲೇ ಗೊತ್ತಾದದ್ದು ನಾನು ಎಂತಹ ಹೇಸಿಗೆಯ ಹೊಂಡಕ್ಕೆ ಕಲ್ಲು ಎಸೆದಿದ್ದೇನೆ ಎಂದು.
ಲಂಕೇಶ್: ತಮ್ಮ ಕಾವ್ಯದ ಮತ್ತು ಮುಖ್ಯ ಕಥಾಸಾಹಿತ್ಯದ (fiction) ಕೇಂದ್ರ ನಿಲುವು ವೈದಿಕ, ಆದರ್ಶಮಯ, ಅವಾಸ್ತವ ಎಂದು ಹಲವರು ಟೀಕಿಸುತ್ತಾರೆ. ಇದಕ್ಕೆ ತಮ್ಮ ಉತ್ತರವೇನು?
ಕುವೆಂಪು: ಅವರ ತಲೆ; ನನ್ನದು ವಿಶ್ವಪ್ರಜ್ಞೆ. ನಾನು ಭಾರತೀಯನಾಗಿ ಅದರಲ್ಲೂ ಕನ್ನಡಿಗನಾಗಿ ಹುಟ್ಟಿದ್ದರಿಂದ ಆ ಸಂಸ್ಕೃತಿಯ ಮತ್ತು ಆ ಭಾಷೆಯ ಪರಿಭಾಷೆಯನ್ನು ಅನಿವಾರ್ಯವಾಗಿ ಉಪಯೋಗಿಸುತ್ತೇನಷ್ಟೆ. ಸತ್ಯ ವೈದಿಕವಾಗಿ ಪ್ರಕಟವಾದ ಮಾತ್ರಕ್ಕೆ ಅಸತ್ಯವಾಗುವುದಿಲ್ಲ. ಆದರ್ಶಮಯವಾದ ಮಾತ್ರಕ್ಕೆ ಅವಾಸ್ತವವಾಗುವುದಿಲ್ಲ. ನನ್ನ ಭಾಷಣದ ಉದ್ದೇಶವೆ ಒಕ್ಕೂಟದ ಹುಡುಗರನ್ನು ಅಂತಹ ತಪ್ಪುದಾರಿಗೆ ಹೋಗದಿರುವಂತೆ ತಡೆಯಬೇಕು ಎಂಬುದಾಗಿತ್ತು. ಚಿನ್ನದ ಒಡವೆಯನ್ನು ಅಕ್ಕಸಾಲಿ ಮಾಡಿದ ಮಾತ್ರಕ್ಕೆ ಚಿನ್ನ ಅಸತ್ಯವಾಗುತ್ತದೆಯೇ? ಗ್ರಾವಿಟೇಶನ್ ಸಿದ್ಧಾಂತವನ್ನು ನ್ಯೂಟನ್ ಕಂಡುಹಿಡಿದ ಮಾತ್ರಕ್ಕೆ ಅದು ಕ್ರೈಸ್ತವಾಗುತ್ತದೆಯೇ? ವೇದದ ಋಷಿ ಸನಾತನ ಶಾಶ್ವತ ಸತ್ಯವನ್ನು ಸಾಕ್ಷಾತ್ಕರಿಸಿಕೊಂಡು ಅದಕ್ಕೆ ‘ಬ್ರಹ್ಮನ್’ ಎಂದು ಹೆಸರು ಕೊಟ್ಟ ಮಾತ್ರಕ್ಕೆ ಆ ಸತ್ಯ ಆ ಋಷಿಯ ಸೃಷ್ಠಿಯಾಗುತ್ತದೆಯೇ? ಆ ಸತ್ಯ ಋಷಿಗೆ ಪೂರ್ವದಲ್ಲಿಯೇ ಇದ್ದುದು; ಆ ಋಷಿ ಮಾತ್ರವಲ್ಲ ಮನುಷ್ಯರೆಲ್ಲ ಮುಗಿದ ಮೇಲೆಯೂ ಆ ಸತ್ಯಕ್ಕೆ ಚ್ಯುತಿ ಬರುವುದಿಲ್ಲ. ಗುರುತ್ವಾಕರ್ಷಣ ಶಕ್ತಿ ನ್ಯೂಟನ್ನಿಗೆ ಪೂರ್ವದಲ್ಲಿಯೂ ಇತ್ತು, ಮನುಷ್ಯ ಕುಲವೇ ನಾಶವಾದ ಮೇಲೆಯೂ ಇರುತ್ತದೆ.
ಅಂತಹ ಸತ್ಯವನ್ನು ನಿತ್ಯ, ಸನಾತನ ಶಾಶ್ವತ ಎನ್ನುತ್ತೇವೆ. ಬೇರೆ ಬೇರೆ ದೇಶಗಳು, ಬೇರೆ ಬೇರೆ ಭಾಷೆಗಳೂ ಬೇರೆ ಬೇರೆ ಹೆಸರು ಕೊಡಬಹುದಷ್ಟೆ. ನನ್ನ ಜೀವನ ದರ್ಶನ ಅಂತಹ ಅಚ್ಯುತ ಸತ್ಯದ ಮೇಲೆ ನಿಂತಿದೆ. ನನ್ನ ಸಾಹಿತ್ಯವೂ ಅದನ್ನೆ ಅಭಿವ್ಯಕ್ತಗೊಳಿಸುತ್ತದೆ. ಅದನ್ನು ‘ನಿಮ್ಮಲ್ಲಿ’ ಕೆಲವರು ‘ವೈದಿಕ’ ಎಂದು ನಿಂದಿಸುವಂತೆ ‘ಅವರಲ್ಲಿ’ ಕೆಲವರು ‘ಅವೈದಿಕ’ ಎಂದೂ ತಿರಸ್ಕರಿಸುತ್ತಾರೆ. ಆದರೆ ನನ್ನ ಸಾಹಿತ್ಯ ಉದ್ಭವಿಸುವುದು ಬದುಕಿನಿಂದ, ಬದುಕಿಗಾಗಿ; ಮತ್ತು ಬದುಕಿನಾಚೆಯ ಬದುಕಿಗಾಗಿ.
ಲಂಕೇಶ್: ಈಚೆಗೊಬ್ಬರು ತಮ್ಮ ಸಾಮಾಜಿಕ ವಿಮರ್ಶೆಯನ್ನು ಕುರಿತು ಹೇಳುತ್ತಾ ‘ಕುವೆಂಪು ಅವರ ಮಾತಿನಲ್ಲಿ ಬ್ರಾಹ್ಮಣ ವಿರೋಧಿ ಧ್ವನಿ ಕೇಳಿ ಬರುತ್ತಿದ್ದರೆ ಅದಕ್ಕೆ ಕಾರಣವನ್ನು ಅವರ ವೈಯಕ್ತಿಕ ಅನುಭವದಲ್ಲಿ ಹುಡುಕಬೇಕು’ ಎಂದಿದ್ದಾರೆ. ಇದಕ್ಕೆ ತಮ್ಮ ಪ್ರತಿಕ್ರಿಯೆ?
ಕುವೆಂಪು: ಶುದ್ಧ ಅಪಾರ್ಥ! ಮೊದಲನೆಯದಾಗಿ ಅದು ಬ್ರಾಹ್ಮಣ ವಿರೋಧಿ ಧ್ವನಿಯಲ್ಲ. ಅಂದರೆ ಬೌದ್ಧ, ಜೈನ, ಕ್ರೈಸ್ತ, ಇಸ್ಲಾಂ ಮತ್ತು ಲಿಂಗಾಯಿತ ಪುರೋಹಿತಶಾಹಿಯನ್ನೂ ಒಳಗೊಂಡಿದೆ. ನನ್ನ ಪುರೋಹಿತಶಾಹಿ ಖಂಡನೆಗೆ ಕಾರಣವನ್ನು ನನಗಿರಬಹುದಾದ ವೈಯಕ್ತಿಕ ಅನುಭವದಲ್ಲಿ ಹುಡುಕುವುದು ಅತ್ಯಂತ ಹಾಸ್ಯಾಸ್ಪದ. ನನ್ನ ಮೂವತ್ತು ನಲವತ್ತು ವರ್ಷದ ಹಿಂದಿನ ಬರಹವನ್ನು ಯಾರೋ ಒಬ್ಬರು ಅಂದು ಟೀಕಿಸಿದುದಕ್ಕಾಗಿ ಇಂದು ನಾನು ನಲವತ್ತು ವರ್ಷಗಳ ಮೇಲೆ ರೊಚ್ಚು ತೀರಿಸಿಕೊಳ್ಳುವುದಕ್ಕೆ ಹಾಗೆ ಮಾತನಾಡಿದೆನೆಂದು ಹೇಳುವುದು ನನ್ನ ವ್ಯಕ್ತಿತ್ವಕ್ಕೆ ಅತ್ಯಂತ ‘ಅಲ್ಪತನ’ ಆರೋಪಿಸಿದಂತಾಗುತ್ತದೆ. ನಾನು ಅಷ್ಟು ‘ಸಣ್ಣ’ವನಲ್ಲ. ನಲವತ್ತು ಐವತ್ತು ವರ್ಷಗಳಿಂದಲೂ ನಾನು ಗದ್ಯ, ಪದ್ಯ, ನಾಟಕ ಎಲ್ಲದರಲ್ಲಿಯೂ ಹೇಳುತ್ತಾ ಬಂದಿರುವುದನ್ನೆ ಮೊನ್ನೆಯು ಹೇಳಿದ್ದೇನೆ ಅಷ್ಟೆ. ಆದರೆ ಇವರು ಯಾರೂ ನೀವೂ ಸೇರಿ, ನನ್ನ ಬರಹಗಳನ್ನು ಅಷ್ಟು ಆಸ್ಥೆಯಿಂದ ಓದಿಯೇ ಇಲ್ಲ ಎಂಬುದು ನನ್ನ ಗುಮಾನಿ. ಇಡೀ ರಾಮಾಯಣದರ್ಶನವೆ ನನ್ನ ‘ದರ್ಶನ’ಕ್ಕೆ ಒಡ್ಡಿದ ಮಹಾ ಪ್ರತಿಮೆಯಾಗಿದೆ. (ನಿಮ್ಮ ಎರಡನೆಯ ಪ್ರಶ್ನೆಗೆ ಕೊಟ್ಟಿರುವ ಉತ್ತರವನ್ನೂ ನೋಡಬಹುದು.)
ಲಂಕೇಶ್: ‘ಬ್ರಾಹ್ಮಣ’ ‘ಶೂದ್ರ’ ‘ಮಣ್ಣಿನ ವಾಸನೆ’ ಇತ್ಯಾದಿ ಮಾತು ಬಹಳವಾಗಿ ಕೇಳಿಬರುತ್ತಿರುವ ಈ ಕಾಲದಲ್ಲಿ ಬ್ರಾಹ್ಮಣ, ಶೂದ್ರರ ಭಾಷೆ, ಅನುಭವ ದೃಷ್ಟಿಯನ್ನು ಕುರಿತ ತಮ್ಮ ವಿಶ್ಲೇಷಣೆ ಏನು?
ಕುವೆಂಪು: ಈ ಮಾತುಗಳೆಲ್ಲ ಮತ್ತೆ ಪುರೋಹಿತಶಾಹಿಯ ಪಿತೂರಿಯ ಟಂಕಸಾಲೆಯ ನಾಣ್ಯಗಳೆ. ನಿಮ್ಮನ್ನು ದಿಕ್ಕು ತಪ್ಪಿಸಿ ಬದುಕಿನ ಋಜುಮಾರ್ಗದಿಂದ ಕಟಂಕಿತ ಮಾರ್ಗಕ್ಕೆ ತಳ್ಳುವ ಉಪಾಯದಿಂದಲೆ ಅವರು ಅವನ್ನು ಹುಟ್ಟಿಸಿದ್ದಾರೆ. ನೀವೂ ಹಿಂದಿನಂತೆಯೇ ಇಂದು ಬೆಪ್ಪುಗಳಾಗಿ ಅದಕ್ಕೆ ವಶರಾಗಿ, ಜನರ ಬದುಕನ್ನು ಮತಮೌಢ್ಯದಿಂದ ಪಾರು ಮಾಡಿ ಅವರನ್ನು ವೈಚಾರಿಕ ಬುದ್ಧಿ ಮತ್ತು ವೈಜ್ಞಾನಿಕ ದೃಷ್ಟಿ ಸಂಪನ್ನರಾಗಿ ಪರಿವರ್ತಿಸಿ ಅವರ ಮನಸ್ಸು ಮತ್ತು ಹೃದಯಗಳನ್ನು ಬೆಳಗುವ, ಅವರ ಸೋತ ಹೃದಯಗಳನ್ನು ಹುರಿದುಂಬಿಸುವ, ಮತ್ತು ವರ್ಣ, ಜಾತಿ ಭೇದಭಾವನೆಗಳನ್ನೆಲ್ಲ ಕಸದ ಬುಟ್ಟಿಗೆ ತೂರಿ ಅವರನ್ನು ಸಮಾನತಾವಾದಿಗಳನ್ನಾಗಿ ಪರಿವರ್ತಿಸುವ ಸಾಹಿತ್ಯ ಸೃಷ್ಟಿ ಮಾಡುವ ಬದಲು, ಗುಂಪುಗಾರಿಕೆಗಲ್ಲದೆ ಮತ್ತೆ ಯಾರಿಗೂ ಬೇಡದ ಮತ್ತು ಯಾರಿಗೂ ಅರ್ಥವಾಗದ ‘ನವ್ಯ’ ನಾಮಕ ವಿಕಾರ ಸೃಷ್ಟಿಗೆ ಮರುಳಾಗಿ ಹೋಗಿದ್ದೀರಿ. ಅಂತಹ ಕೃತಕ ಅನುಕರಣೀಯ ಪಂಥಗಳನ್ನೆಲ್ಲ ನಿಮ್ಮ ಹೃದಯದಿಂದ ಕಿತ್ತೊಗೆದು, ನಿಮ್ಮವರ ಬದುಕನ್ನು ನೇರವಾಗಿ ನೋಡಿ ಅದರಿಂದ ಉದ್ಭವಿಸುವ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಅವರನ್ನು ಮೇಲಕ್ಕೆತ್ತುವ ಧೀರಭಾವಗಳನ್ನೂ ಕ್ರಿಯಾಶೀಲ ಆದರ್ಶಗಳನ್ನೂ ನಿಮ್ಮ ಬರವಣಿಗೆಗಳಲ್ಲಿ ನೀಡಬೇಕಾಗಿರುವುದು ಸದ್ಯದ ನಿಮ್ಮ ಆದ್ಯ ಕರ್ತವ್ಯ. ಪುರೋಹಿತಶಾಹಿಯ ಮೆಚ್ಚುಗೆಗೂ ಹೊಗಳಿಕೆಗೂ ಹಾತೊರೆದು ಬಾಯಿ ಬಿಟ್ಟು ನಿಮ್ಮ ಪೌರುಷ ತೇಜಸ್ಸುಗಳಿಗೆ ಅಪಮಾನ ಮಡಿಕೊಳ್ಳುವುದನ್ನು ಒಡನೆಯೇ ನಿಲ್ಲಿಸಿಬಿಡಿ. (ಮಾನಸ ಗಂಗೋತ್ರಿಯಲ್ಲಿ ಏರ್ಪಡಿಸಿದ್ದ ಲೇಖಕರ ಗೋಷ್ಠಿಯನ್ನು ಉದ್ಘಾಟಿಸುತ್ತಾ ನಾನು ಮಾಡಿದ ಭಾಷಣವನ್ನು ಗಮನವಿಟ್ಟು ಓದಿ ನೋಡಿದರೆ ನನ್ನ ಅಭಿಪ್ರಾಯಗಳು ಸ್ಪಷ್ಟಗೊಳ್ಳುತ್ತವೆ.)
ಲಂಕೇಶ್: ಕನ್ನಡ ಸಾಹಿತಿಗಳು ಬಹುಕಾಲದಿಂದ ಈ ನಾಡ ಹೆಸರಿನ ಬದಲಾವಣೆ, ಕನ್ನಡ ಮಾಧ್ಯಮ ಕುರಿತು ಮಾತನ್ನಾಡುತಿದ್ದರೂ ಕೇವಲ ಹೆಸರಿನ ಬದಲಾವಣೆ ಮಾತ್ರ ಆಗಿ ಮಾಧ್ಯಮದ ಪ್ರಶ್ನೆ ಹಾಗೇ ಉಳಿದಿದೆ. ಇದು ಸಾಹಿತಿಯ ಪ್ರಭಾವದ ದೌರ್ಬಲ್ಯ ತೋರುತ್ತದೆಯೆ?
ಕುವೆಂಪು: ಹಾಗೇನಿಲ್ಲ, ಈಗಾಗಲೆ ತಕ್ಕಷ್ಟು ಕಾರ್ಯ ನಡೆದಿದೆ. ನಡೆಯುತ್ತಲೂ ಇದೆ. ಜನತೆ, ಸರಕಾರ, ಸಾಹಿತ್ಯ ಪರಿಷತ್ತು ಮತ್ತು ವಿಶ್ವವಿದ್ಯಾಲಯಗಳು ಎಲ್ಲವೂ ಕನ್ನಡ ಮಾಧ್ಯಮ ತತ್ವವನೊಪ್ಪಿ ಕ್ರಿಯಾಶೀಲವಾಗಿ ಮುಂದುವರೆಯುತ್ತಿವೆ. ಅದು ಪೂರ್ತಿ ಕೈಗೂಡಲು ತುಸು ಸಮಯ ಬೇಕಾಗಬಹುದು ಅಷ್ಟೆ.
ಲಂಕೇಶ್: ಈ ನಾಡ ತರುಣರಿಗೆ ತಮ್ಮ ಹಿತವಚನವೇನು?
ಕುವೆಂಪು: ನನ್ನ ಸಾಹಿತ್ಯದಲ್ಲಿ- ಕತೆ, ಕಾದಂಬರಿ, ಭಾವಗೀತೆ, ಕಾವ್ಯ, ಮಹಾಕಾವ್ಯ, ಜೀವನ ಚರಿತ್ರೆ, ಭಾಷಣ, ವಿಮರ್ಶೆ ಇತ್ಯಾದಿ- ನಾನು ಹೇಳಬೇಕಾದ್ದೆಲ್ಲವನ್ನೂ ಹೇಳಿದ್ದೇನೆ. ಇಷ್ಟವಿರುವ ತರುಣರು ಅವುಗಳನ್ನು ಮನಸ್ಸಿಟ್ಟು ಓದಲಿ. ವಿಶೇಷವಾಗಿ, ಅದರ ಮುನ್ನುಡಿ ಸಹಿತ ‘ಆತ್ಮಶ್ರೀಗಾಗಿ ನಿರಂಕುಶಮತಿಗಳಾಗಿ’ ಎಂಬ ಪುಸ್ತಕದ ನಾಲ್ಕು ಭಾಷಣಗಳನ್ನಾದರೂ ಓದಲಿ. ಆದರೆ ನಾಲ್ಕನ್ನೂ ಸಮಗ್ರವಾಗಿ ತೆಗೆದುಕೊಳ್ಳಬೇಕು, ಅಷ್ಟೆ.- ಸರ್ವೋದಯ, ಸಮನ್ವಯ ಮತ್ತು ಪೂರ್ಣದೃಷ್ಟಿ ಇವುಗಳೇ ಎಲ್ಲರ ಧ್ಯೇಯಮಂತ್ರಗಳಾಗಲಿ.
ಕೃಪೆ: -‘ಪಾಂಚಾಲಿ’ (ದೀಪಾವಳಿ-ರಾಜ್ಯೋತ್ಸವ ವಿಶೇಷ ಸಂಚಿಕೆ, ಪುಟ: 11-14, 1974)
ಸಂಪಾದಕರು: ಪಿ. ಲಂಕೇಶ್
ಸುದ್ದಿದಿನ.ಕಾಂ|ವಾಟ್ಸಾಪ್|9980346243




