ಅಂತರಂಗ
ಅರಿಮೆಯ ಅರಿವಿರಲಿ-15 : ಅಹಂ ಬ್ರಹ್ಮಾಸ್ಮಿ

- ಯೋಗೇಶ್ ಮಾಸ್ಟರ್
“ತನಗೇ ಎಲ್ಲಾ ಗೊತ್ತು. ನಾನು ಹೇಳುವುದೆಲ್ಲಾ ಸರಿಯೇ ಇರುತ್ತದೆ. ನನಗೆ ಯಾರ ನಿರ್ದೇಶನವೂ ಬೇಡ. ನನ್ನ ನಿರ್ದೇಶನದಲ್ಲಿ ಎಲ್ಲವೂ ಆಗಬೇಕು. ನಾನು ಹೇಳಿದಷ್ಟು ಮಾತ್ರ ಕೇಳಿ. ನನಗೇನೂ ಹೇಳಲು ಬರಬೇಡಿ” ಎಂದು ತಾನೊಬ್ಬ ಸರ್ವಶಕ್ತ ಭಗವಂತನಂತೆ ವರ್ತಿಸುವವರನ್ನು ನಿಮ್ಮ ಬದುಕಿನ ಎಲ್ಲಾ ರಂಗಗಳಲ್ಲೂ ಒಂದಲ್ಲಾ ಒಂದು ಕಡೆ ನೋಡಿ ಇರುತ್ತೀರಿ. ಇದೂ ಆತ್ಮರತಿಯದೇ ಅರಿಮೆ. ಆದರೆ ಅದಕ್ಕಿಂತ ಒಂದು ಕೈ ಮೇಲು. ಇದಕ್ಕೆ God Complex ಅಥವಾ ದೈವಿಕ ಅರಿಮೆ ಎಂದು ಗುರುತಿಸುತ್ತಾರೆ.
ಈ ಅರಿಮೆಯಲ್ಲಿ ವ್ಯಕ್ತಿ ತಾನೊಬ್ಬ ದೈವೀಪುರುಷನೆಂದು ಭಾವಿಸುವುದಷ್ಟೇ ಅಲ್ಲದೇ ದೇವರಿಗಿದ್ದಂತೆ ತನಗೆ ಶಕ್ತಿಸಾಮರ್ಥ್ಯಗಳೂ ಇವೆ ಎಂದು ಭ್ರಮಿಸುವುದು ಎಂದೇನೂ ಇಲ್ಲ. ತಾನು ಯಾರಿಗೂ ಉತ್ತರಿಸಬೇಕಾಗಿಲ್ಲ ಎಂಬ ಧೋರಣೆಯನ್ನು ಹೊಂದಿರುವನು. ಆದರೆ ನಮ್ಮ ದೇಶದಲ್ಲಿ ನಾನೇ ಭಗವಂತ ಎಂದು ನೇರವಾಗಿ ಸಾರಿಕೊಳ್ಳುವ ದೇವ ಮಾನವರನ್ನು ಕಂಡಿದ್ದೇವೆ.
ತಾವು ದೈವೀ ಪುರುಷರೆಂದು ಹೇಳಿಕೊಂಡು ಆಧ್ಯಾತ್ಮ ಪುರುಷರು ತೋರುವ ವರ್ತನೆಗಳಿಂದ ಆಸ್ತಿಕರಿಗೆ ಭಕ್ತಿ ಬರಬಹುದು, ಆದರೆ ನಾಸ್ತಿಕರಿಗೆ ನಗು ಬರುತ್ತದೆ. ಆದರೆ ಇವುಗಳನ್ನು ಮೀರಿ ಮನೋವೈದ್ಯರಿಗೆ ಇವರ ದೈವಿಕ ಅರಿಮೆ ಒಂದು ಅಧ್ಯಯನದ ವಿಷಯ. ಇದಿರುವವರು ಒಬ್ಬ ಮನೋರೋಗಿ ಅಷ್ಟೇ.
ದೇವರಾಗಲು ನೂರು ದಾರಿ
ಧಾರ್ಮಿಕ ಮತ್ತು ಅಧ್ಯಾತ್ಮಿಕ ವ್ಯಕ್ತಿಗಳು ಮಾತ್ರ ಈ ಬಗೆಯ ದೈವಿಕ ಅರಿಮೆಯನ್ನು ಹೊಂದಿರುತ್ತಾರೆಂದುಕೊಳ್ಳಬೇಡಿ. ಈ ಅರಿಮೆ ನಾನಾ ರೀತಿಗಳಿಂದ ಬೆಳೆಯುತ್ತಾ ಹೋಗುತ್ತದೆ.ಯಾವುದೋ ಒಂದು ಕ್ಷೇತ್ರದಲ್ಲಿ ಮಹತ್ತರ ಸಾಧನೆಯನ್ನು ಮಾಡಿರುವವರು ಬಹು ಬೇಗ ಇಂಥಾ ಭ್ರಮೆಗೆ ಒಳಗಾಗಿರುವುದರ ಉದಾಹರಣೆ ಸಾಕಷ್ಟು ನಮ್ಮ ಕಣ್ಣ ಮುಂದಿವೆ.
ಸಂಗೀತದಲ್ಲಾಗಿರಬಹುದು, ವೈದ್ಯಕೀಯ ಕ್ಷೇತ್ರದಲ್ಲಾಗಿರಬಹುದು, ರಾಜಕೀಯದಲ್ಲಾಗಿರಬಹುದು, ಸಾಹಿತ್ಯದಲ್ಲಾಗಿರಬಹುದು; ಅತ್ಯುನ್ನತ ಗೌರವಗಳನ್ನು ಪಡೆಯುತ್ತಿದ್ದು, ಅವರ ಕೀರ್ತಿ ಮತ್ತು ಸಾಮಾಜಿಕ ಸ್ಥಾನಮಾನದ ದೆಸೆಯಿಂದ ಅವರನ್ನು ಕಂಡವರಾರು ಸಹಜವಾಗಿ ಕಡೆಗಣಿಸುವುದಿಲ್ಲ. ಅವರು ಯಾರಿಗಾದರೂ ನಿರ್ದೇಶನಗಳನ್ನು ನೀಡಿದರೆ “ಇಂಥಾ ದೊಡ್ಡ ಮನುಷ್ಯರು ಕೇಳಿದ್ದಾರೆ” ಎಂದು ಗೌರವದಿಂದ ಅನುಸರಿಸುತ್ತಾರೆ.
ಆದರೆ ಮೇಲಿಂದ ಮೇಲೆ ಆಗುವ ಇಂತಹ ಅನುಭವಗಳಿಂದ ಅಥವಾ ತಾವೇ ತಮ್ಮ ಬಗ್ಗೆ ಹೊಂದುವ ಚಿತ್ರಣದಿಂದ ದೈವಿಕ ಅರಿಮೆಗೆ ಒಳಗಾಗುತ್ತಾರೆ. ಅವರಿಗಿಂತ ಮೇಲಾಗಿ ಯಾರಾದರೂ ವರ್ತಿಸಿದರೆ ಅವರಿಗೆ ಆಗುವುದಿಲ್ಲ. ಜೀಯಾ, ಸ್ವಾಮಿ ಎಂದು ಯಾರೇ ಅಂಗಲಾಚಿದರೂ ಅವರಿಗೆ ಅಭಯ ಹಸ್ತವನ್ನು ತೋರುತ್ತಾರೆ. ನಾನು ನಿನ್ನ ಕಾಪಾಡುತ್ತೇನೆ ಎಂಬ ವರದಾನದ ಭರವಸೆ ನೀಡುತ್ತಾರೆ.
ಎಷ್ಟರ ಮಟ್ಟಿಗೆ ಅವರನ್ನು ಅದು ಕಾಡುತ್ತದೆ ಎಂದರೆ ಎಷ್ಟೋ ಬಾರಿ ಅವರು ಪರಸ್ಪರ ಗೌರವ ಸೂಚಕ ನಮಸ್ಕಾರ ಕೂಡಾ ಅವರು ಮಾಡುವುದಿಲ್ಲ. ಇತರರ ನಮಸ್ಕಾರವನ್ನು ಮಾತ್ರ ಸ್ವೀಕರಿಸುತ್ತಾರೆ. ನಮ್ಮ ಭಾರತದಲ್ಲಿ ಇಂತಹ ದೈವಿಕ ಅರಿಮೆಯನ್ನು ಹೊಂದಿರುವಂತಹ ಹಲವಾರು ಗಣ್ಯರು ನಮಗೆ ಕಾಣಬರುತ್ತಾರೆ.
ನಾನೇ ಭಗವಂತ
ಈಗ್ಗೆ ಕೆಲವು ವರ್ಷಗಳ ಹಿಂದೆ ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕರೊಬ್ಬರು ಧ್ಯಾನ, ಆಧ್ಯಾತ್ಮಿಕ ಸಾಧನೆ ಇತ್ಯಾದಿಗಳನ್ನು ಬಹಳ ಗಂಭೀರವಾಗಿ ಮಾಡುತ್ತಿದ್ದರು. ಅಹಂ ಬ್ರಹ್ಮಾಸ್ಮಿಯ ಅರಿಮೆಯು ಅದೆಷ್ಟರ ಮಟ್ಟಿಗೆ ಮನಸ್ಸಿನ ಆಳಕ್ಕಿಳಿದಿತೆಂದರೆ, ನೆಲದ ಜೊತೆಗೆ ಸಂಪರ್ಕ ನಿಲ್ಲಿಸಿದರು. ಅಂದರೆ ಬರಿಗಾಲಿನಲ್ಲಿ ನೆಲದ ಮೇಲೆ ನಡೆಯುತ್ತಿರಲಿಲ್ಲ. ಅವರು ಹೊರಗಿನ ಜನರನ್ನು ಸಂದರ್ಶಿಸುವುದನ್ನು ನಿಲ್ಲಿಸಿದರು. ಯಾರಿಗೂ ಕೈ ಕುಲುಕುತ್ತಿರಲಿಲ್ಲ. ತಮ್ಮ ಶಕ್ತಿಯ ಪತನವಾಗುತ್ತದೆ ಎಂದು ಭಾವಿಸಿ ಬಹುತೇಕ ಮಾನಸಿಕ ರೋಗಿಯಂತಾಗಿದ್ದರು. ನಂತರ ಅವರ ಆಪ್ತರ ಸಮಾಲೋಚನೆ ಮತ್ತು ಮುನ್ನೆಚ್ಚರಿಕೆಯಿಂದ ಅವರ ಅರಿವಿಗೂ ತಮ್ಮ ವಿಷಯ ನಿಲುಕಿತು ಮತ್ತು ಮುಂದೆ ಗುಣಮುಖರೂ ಆಗಿ ತಮ್ಮ ಸಂಗೀತ ಸಾಧನೆ ಮುಂದುವರಿಸಿದರು.
ಗಣ್ಯರಿರಲಿ, ಕೆಲವರು ಸಾಮಾಜಿಕ ಜೀವನದಲ್ಲಿ ಅದೆಷ್ಟೇ ನಗಣ್ಯರಾಗಿದ್ದರೂ, ಈ ಬಗೆಯ ಅರಿಮೆಯನ್ನು ಹೊಂದಿದ್ದು ಕಂಡವರ ಪಾಲಿಗೆ ನಗೆಪಾಟಲಾಗುತ್ತಾರೆ. ಜನಸಾಮಾನ್ಯರಿಗೆಂದು ಇರುವ ಸಾಮಾನ್ಯ ನಿಯಮಗಳು ಅಥವಾ ರೀತಿನೀತಿಗಳು ತಮಗೆ ಅನ್ವಯವಾಗುವುದಿಲ್ಲ ಎಂದು ಭಾವಿಸುತ್ತಾರೆ. “ಇದು ಒನ್ ವೇ. ಹೋಗುವುದು ಬೇಡ” ಎಂದರೆ, “ನನಗ್ಯಾವ ಒನ್ ವೇ?” ಎಂದು ಎದೆಯುಬ್ಬಿಸಿ ನಗುತ್ತಾರೆ. ಮೇಲರಿಮೆಯ ತುತ್ತತುದಿಯ ಭಾಗವಿದು. ಅವರು ತಮಗೊಂದು ವರ್ಚಸ್ಸಿದೆ ಎಂದು ಭಾವಿಸುತ್ತಾರೆ.
ಗಾಢ ಮತ್ತು ಆಳವಾದ ಪ್ರಭಾವವನ್ನು ಬೀರುವಂತಹ ಧ್ವನಿ ಇದೆ ಎಂದುಕೊಂಡು ಅದೇ ರೀತಿ ಘನ ಗಂಭೀರದಿಂದ ಮಾತಾಡುತ್ತಾರೆ. ತಮ್ಮಿಂದ ಆಗದೇ ಇರುವಂತಹ ಕೆಲಸವೇ ಇಲ್ಲ ಎಂಬಂತೆ ಆಶ್ವಾಸನೆಗಳನ್ನು ನೀಡುತ್ತಾರೆ. ತಮಗಿಂತ ವಯಸ್ಸಿನಲ್ಲಿ, ಸಾಧನೆಯಲ್ಲಿ ದೊಡ್ಡವರನ್ನು ಕಂಡರೂ ತಮಗಿರುವ ವಿಶೇಷ ದೈವಿಕ ಸಾಮರ್ಥ್ಯ ಮತ್ತು ಅಸ್ತಿತ್ವದ ಮುಂದೆ ಅದೆಲ್ಲವೂ ಕ್ಷುಲ್ಲಕವೆಂದೇ ಅವರ ಭಾವನೆಯಾಗಿರುತ್ತದೆ.
ಅವರನ್ನು ಇತರರು ಸರಿಪಡಿಸುವುದು ಬಹಳ ಕಷ್ಟ. ಅವರಿಗೇ ತಮಗೆ ಈ ಬಗೆಯ ಅರಿಮೆ ಇದೆ ಎಂದು ಅರ್ಥವಾಗಬೇಕು. ತಾನು ವರ್ತಿಸುವ ಸಮಯದಲ್ಲೆಲ್ಲಾ ಎಚ್ಚರಗೊಳ್ಳಬೇಕು. ಹಾಗೆ ವರ್ತಿಸದೇ ಸಹಜವಾಗಿ ವರ್ತಿಸುವಂತಹ ಅಭ್ಯಾಸವನ್ನು ಮಾಡಬೇಕು. ಸತತವಾದ ಅಭ್ಯಾಸ ಮಾಡುತ್ತಿದ್ದರೆ ದೈವಿಕ ಅರಿಮೆಯಿಂದ ಹೊರಬರಲು ಸಾಧ್ಯ.
ಸೃಷ್ಟಿಕರ್ತ
ಸಾಮಾನ್ಯವಾಗಿ ಈ ದೈವಿಕ ಅರಿಮೆಯು ಬದುಕಿನ ಎಲ್ಲಾ ರಂಗಗಳಲ್ಲಿದ್ದರೂ ಸೃಜನಶೀಲ ವ್ಯಕ್ತಿಗಳಲ್ಲಿ ಹೆಚ್ಚಾಗಿ ಕಾಣುತ್ತದೆ. ಇದಕ್ಕೆ ಬಹುಶಃ ದೇವರು ಎಂಬ ಸೃಷ್ಟಿಕರ್ತನ ಪರಿಕಲ್ಪನೆ ಮನಸ್ಸಿನಲ್ಲಿ ಆಳವಾಗಿ ಬೇರೂರಿದ್ದು, ತಾವೂ ಕಲೆ, ಸಾಹಿತ್ಯ ಇತ್ಯಾದಿಗಳಲ್ಲಿ ಸೃಷ್ಟಿಸುವ ಕೆಲಸದಲ್ಲಿ ನಿರತರಾಗಿರುವುದರಿಂದ ಈ ಅರಿಮೆ ನಿಧಾನವಾಗಿ ತಲೆದೋರಬಹುದು.
ಮಗುವೊಂದು ಅದೂ ಇದೂ ಜೋಡಿಸಿಕೊಂಡು ಆಟವಾಡುವುದನ್ನು ಗಮನಿಸಿ. ಅದಕ್ಕೆ ಹೊರಗಿನ ಲೋಕದ ಪರಿವೆಯೇ ಇರುವುದಿಲ್ಲ. ಅದಕ್ಕೆ ನಿರ್ಧಿಷ್ಟವಾಗಿ ಏನು ರಚಿಸುತ್ತಿದ್ದೇನೆ ಎಂದು ಸರಿಯಾಗಿ ತಿಳಿಯದಿದ್ದರೂ ಏನನ್ನೋ ಸೃಷ್ಟಿಸುವ ಕ್ರಿಯೆಯಲ್ಲಿ ಮೈಮರೆತಿರುತ್ತದೆ. ಅದೇ ರೀತಿ ಸೃಜನಶೀಲ ವ್ಯಕ್ತಿಗಳೂ ಕೂಡಾ ಸೃಷ್ಟಿಯಕಾರ್ಯದಲ್ಲಿ ನಿರತರಾಗಿರುವಾಗ ಹೊರ ಜಗತ್ತಿನ ಪರಿವೆಯನ್ನು ಹೊಂದಿರುವುದಿಲ್ಲ. ಹಾಗಾಗಿ ಕೆಲವು ಕಲಾವಿದರ ವರ್ತನೆಯು ವಿಲಕ್ಷಣ ಎಂದೂ ಅನ್ನಿಸಬಹುದು. ಅವರಿಗೆ ಯಾರೂ ಸರಿಪಡಿಸಲು ಹೋಗಲಾಗದು.
ಏಕೆಂದರೆ ಅವರು ಕುಟುಂಬದ ಬಂಧವನ್ನು, ಸಂಬಂಧಗಳನ್ನೂ ಕೂಡಾ ಕಳೆದುಕೊಳ್ಳಲು ಸಿದ್ಧರಾಗಿರುವರು. ವಾಸ್ತವವಾಗಿ ಅವರಿಗೆ ಅವೆಲ್ಲವೂ ಅವರ ಸೃಷ್ಟಿಕಾರ್ಯದಲ್ಲಿ ಅಡಚಣೆಗಳೆಂದೇ ಅನ್ನಿಸುವುದು. ಅವರ ಸಂಬಂಧ ಮತ್ತು ಅದರ ಸುತ್ತಲಿನ ಚಟುವಟಿಕೆಗಳು ಕಲಾವಿದರಿಗೆ ಬಂಧನ ಎನ್ನಿಸುವುದು. ಬಹಳಷ್ಟು ಕಲಾವಿದರ ವೈವಾಹಿಕ ಸಂಬಂಧಗಳೂ ಕೂಡಾ ಮುರಿದುಬೀಳುವುದು ಏನೂ ಆಶ್ಚರ್ಯವಿಲ್ಲ. ದೈವಿಕದರಿಮೆಯ ವ್ಯಕ್ತಿಗಳಿಗೆ ದಾಂಪತ್ಯ ಜೀವನ ಕಷ್ಟಸಾಧ್ಯ.
ತಾವು ಇಂತಹುದ್ದೊಂದರ ಅರಿಮೆಯಲ್ಲಿ ಇದ್ದೇವೆ ಎಂದು ತಿಳಿದರೆ ಅವರು ಇದರಿಂದ ಹೊರಗೆ ಬರುವ ಪ್ರಯತ್ನ ಮಾಡಬಲ್ಲರು. ವಿಶ್ವದ ವಿರಾಟ್ ಸ್ವರೂಪದ ಮುಂದೆ ತಾವೊಂದು ಅಣುವಿನಲ್ಲಿ ಅಣುವೆಂಬ ಕುಬ್ಜತೆಯ ಅರಿವಾದರೆ ತನ್ನ ವಿರಾಟ್ ರೂಪವನ್ನು ಸಂಕುಚಿತಗೊಳಿಸಿಕೊಳ್ಳಬಹುದು.
ಎಂದರೋ ಮಹಾನುಭಾವುಲು ಆಗಿರು ಹೋಗಿರುವ ಚರಿತ್ರೆಯ ಪ್ರಜ್ಞೆ ಮತ್ತು ತಾವೆಷ್ಟು ಸಂಕುಚಿತ ವ್ಯಕ್ತಿ ಎಂಬ ಭಾವ ದೈವಿಕ ಅರಿಮೆಯನ್ನು ಕ್ರಮೇಣ ಇಲ್ಲವಾಗಿಸಬಹುದು.
ರೋಗ ಲಕ್ಷಣಗಳು
ದೈವಿಕ ಅರಿಮೆಯವರ ಇನ್ನೊಂದು ರೋಗಲಕ್ಷಣವೆಂದರೆ “ತನ್ನ ತೀರ್ಮಾನ ಮತ್ತು ಕಾರ್ಯವೈಖರಿಯೇ ಉಳಿದವರಿಗಿಂತ ಸರಿಯಾದದ್ದು ಮತ್ತು ಉತ್ತಮವಾದದ್ದು” ಎಂದು ಭಾವಿಸುವುದು. ಯಾವಾಗ ಇದೇ ಭಾವನೆಯು ಸತತವಾಗಿ ಬರುತ್ತಿದೆ ಎಂದೆನಿಸಿದಾಗ ಈ ಅರಿಮೆಯ ಲಕ್ಷಣಗಳು ನನ್ನಲ್ಲೂ ಇವೆ ಎಂಬ ಎಚ್ಚರಿಕೆ ಬರಬೇಕು. ಹಾಗೆಯೇ ಮುಕ್ತ ಮನಸ್ಸಿನಿಂದ, ತೆರೆದ ಹೃದಯದಿಂದ ಇತರರ ಸಲಹೆ, ಸೂಚನೆ ಮತ್ತು ನಿರ್ದೇಶನಗಳಿಗೆ ಕಿವಿಗೊಡಬೇಕು. ಉದ್ದೇಶಪೂರ್ವಕವಾಗಿ ತನ್ನದನ್ನು ಬದಿಗಿರಿಸಿ, ಇತರರದನ್ನು ಪರಿಗಣಿಸುವ ರೂಢಿಯನ್ನು ಮಾಡಿಕೊಂಡು ತನ್ನ ಅರಿಮೆಯ ಹುಟ್ಟಡಗಿಸಬೇಕು.
ಈ ದೈವಿಕ ಅರಿಮೆಯವರ ಮತ್ತೊಂದು ಢಾಳಾದ ಲಕ್ಷಣವೆಂದರೆ, “ನನ್ನ ಯಾರೂ ಅರ್ಥ ಮಾಡಿಕೊಳ್ಳುವುದಿಲ್ಲ” ಎಂದು ಗೊಣಗುತ್ತಿರುವುದು. ಸಮಸ್ಯೆ ಏನೆಂದರೆ ಇತರರನ್ನು ಅರ್ಥ ಮಾಡಿಕೊಳ್ಳುವ ಆಲೋಚನೆಯೇ ಇವರಿಗೆ ಹೊಳೆಯದಿರುವುದು. ಹೌದು, ನಾನು ಹೇಳುವುದು ಇವರಿಗೆ ಯಾಕೆ ಅರ್ಥವಾಗುತ್ತಿಲ್ಲ? ನಾನು ಸರಿಯಾಗಿ ಹೇಳುತ್ತಿಲ್ಲವೇ? ಎಂದು ತಮ್ಮನ್ನು ಪ್ರಶ್ನಿಸಿಕೊಳ್ಳುವುದಿಲ್ಲ. ಬದಲಾಗಿ ನಾನು ಹೇಳುವುದನ್ನು ಅರ್ಥ ಮಾಡಿಕೊಳ್ಳುವ ಸಾಮರ್ಥ್ಯ ಇವರಲ್ಲಿ ಇಲ್ಲ ಅಥವಾ ಇವರು ನಾನು ಹೇಳುವುದನ್ನು ಅರ್ಥ ಮಾಡಿಕೊಳ್ಳಲಾಗದಷ್ಟು ದಡ್ಡರು ಎಂದುಕೊಳ್ಳುತ್ತಾರೆ.
ಇವೆರಡೂ ಅನ್ನಿಸದಿದ್ದರೆ, ನಾನು ಹೇಳುವುದನ್ನು ಕೇಳದೇ ಇರುವಷ್ಟು ಉದ್ಧಟತನ ತೋರುತ್ತಿದ್ದಾರೆ ಇವರಿನ್ನು ಇಲ್ಲಿ ಇರಬಾರದು ಎಂಬ ತೀರ್ಮಾನಕ್ಕೆ ಬರುತ್ತಾರೆ. ಅವರ ಆಗಿನ ಮಾತೆಂದರೆ, “ಒಂದೋ ನೀನು ಇಲ್ಲಿರಬೇಕು ಅಥವಾ ನಾನಿಲ್ಲಿ ಇರಬೇಕು.” ಈ ಮಾತಿನ ಅರ್ಥ ನಾನು ಹೋಗುತ್ತೇನೆ ಎಂದಲ್ಲ. ಇದು ನನ್ನ ಸ್ಥಳ ನೀನು ಇಲ್ಲಿಂದ ಹೋಗಬೇಕು ಎಂದರ್ಥ. ಅಂದರೆ ಒಂದೋ ನೀನು ನನ್ನ ಆಜ್ಞಾನುವರ್ತಿಯಾಗಿ ಇರಬೇಕು. ಇಲ್ಲವೆಂದರೆ ಹೋಗುತ್ತಿರಬೇಕು. ಇದು ಅವರ ಅರಿಮೆಯ ಸ್ಪಷ್ಟತೆ.
ದೈವಿಕ ಅರಿಮೆಯವರು ಎಲ್ಲಾ ವಿಷಯಗಳಲ್ಲೂ ಮಾತಾಡಲು, ತಮ್ಮ ಅಭಿಪ್ರಾಯ ನೀಡಲು, ತಮಗೆ ಆ ವಿಷಯ ಗೊತ್ತಿದೆ ಎಂದು ತೋರ್ಪಡಿಸುತ್ತಿರುತ್ತಾರೆ. ದೇವರು ಸರ್ವಜ್ಞನಲ್ಲವೇ? ಅವರು ಸಾಮಾನ್ಯವಾಗಿ ಎಲ್ಲದರ ಬಗ್ಗೆ ತಿಳಿದುಕೊಳ್ಳಲೂ ಪ್ರಯತ್ನಿಸುತ್ತಿರುತ್ತಾರೆ. ಇದಕ್ಕಿರುವ ಪರಿಹಾರ ಒಂದೇ. ತನ್ನ ಸಾಮರ್ಥ್ಯ ಮತ್ತು ಮಿತಿಯನ್ನು ಅರಿತುಕೊಳ್ಳುವುದು. ತನಗೆ ಸಾಮರ್ಥ್ಯವಿರುವುದರಲ್ಲಿ ಆತ್ಮವಿಶ್ವಾಸದಿಂದ ಕೆಲಸ ಮಾಡುವುದು. ತನಗೆ ಮಿತಿಯಿರುವ ವಿಷಯದಲ್ಲಿ ವಿನಯವಾಗಿ ತಿಳಿಯುವ ಪ್ರಯತ್ನ ಮಾಡುವುದು. ಬಲ್ಲವರ ಬಳಿ ಅಹಂಕಾರ ತೋರದೇ, ಹುಸಿ ಜ್ಞಾನದ ಪ್ರದರ್ಶನ ಮಾಡದೇ ಗೊತ್ತಿಲ್ಲ, ನನಗೇನೂ ಗೊತ್ತಿಲ್ಲ ಎಂದು ಸ್ಪಷ್ಟಪಡಿಸುವ ರೂಢಿಯನ್ನು ಮಾಡಿಕೊಳ್ಳುವುದು.
ಯಾವಾಗಲೂ ಸ್ಪರ್ಧಾತ್ಮಕವಾಗಿಯೇ ಪ್ರತಿಯೊಂದು ವಿಷಯಗಳನ್ನೊ ತೆಗೆದುಕೊಳ್ಳುವುದು. ಸವಾಲುಗಳನ್ನು ಎಸೆಯುವುದು. ಇತರ ಸಾಧನೆಗಳನ್ನು ಸವಾಲುಗಳಂತೆ ಸ್ವೀಕರಿಸುವುದು. ನಾನು ಅತ್ಯುತ್ತಮವಾದ ಪ್ರದರ್ಶನವನ್ನು ಕೊಡಬೇಕು ಎಂದು ಆಲೋಚಿಸುವುದು ಆರೋಗ್ಯಕರ ಧೋರಣೆಯ ಲಕ್ಷಣ. ಆದರೆ, ನಾನೇ ಅತ್ಯುತ್ತಮವಾದ ಪ್ರದರ್ಶನವನ್ನು ನೀಡುವುದು. ಇನ್ನಾರೂ ಕೊಡುವುದಿಲ್ಲ ಅಥವಾ ಕೊಡಕೂಡದು ಎನ್ನುವುದು ಮನೋರೋಗದ ಲಕ್ಷಣ. ಇಂತಹ ಮನಸ್ಥಿತಿಯವರು ತಮ್ಮ ಎದುರಾಳಿಗಳನ್ನು ಬಗ್ಗುಬಡಿಯಲು ಏನೆಲ್ಲಾ ಮಾಡುತ್ತಾರೆ ಎಂಬ ಸಾಕಷ್ಟು ಉದಾಹರಣೆಗಳನ್ನು ನಮ್ಮ ಸಾಮಾನ್ಯ ಜೀವಿತಾವಧಿಯಲ್ಲೇ ಕಾಣುತ್ತಿರುತ್ತೇವೆ.
ಇತರರನ್ನು ಕಡೆಗಣಿಸುವುದು ಮತ್ತು ಅವರದೇನೂ ಅಂತಹ ಸತ್ವವಿಲ್ಲ ಎನ್ನುವುದು ಈ ಅರಿಮೆಯುಳ್ಳವರ ತೀರಾ ಸಾಮಾನ್ಯ ಲಕ್ಷಣ. ತಮ್ಮನ್ನು ಇತರರೊಂದಿಗೆ ಸದಾ ಹೋಲಿಸಿಕೊಳ್ಳುತ್ತಿರುತ್ತಾರೆ. ಅದನ್ನು ಹೊರಗೆ ತೋರ್ಪಡಿಸದಿದ್ದರೂ ತಮ್ಮೊಳಗೇ ಆ ಹೋಲಿಕೆಯ ಕೆಲಸ ಭರದಿಂದ ಸಾಗುತ್ತಲೇ ಇರುತ್ತದೆ. ತಾವು ಮಾಡಿದ ಕೆಲಸವನ್ನು ಯಾರೂ ವಿಮರ್ಶೆ ಮಾಡಬಾರದು ಮತ್ತು ಅದನ್ನು ಸರ್ವಶ್ರೇಷ್ಟವೆಂದು ಅವರು ಭಾವಿಸಿರುತ್ತಾರೆ. ಅವರು ಆ ವಿಷಯದಲ್ಲಿ ಎಡವಟ್ಟುಗಳನ್ನೇ ಮಾಡಿರಲಿ. ಅದನ್ನು ಅವರು ತೋರಿಸಿಕೊಳ್ಳುವುದಿಲ್ಲ.
ಇತರರ ಮಾತುಗಳನ್ನು ಕೇಳಿಸಿಕೊಳ್ಳುವುದಿಲ್ಲ.ಎದುರು ಇರುವವರ ಮಾತುಗಳನ್ನು ಕೇಳುವುದಕ್ಕಿಂತ ತಮ್ಮ ಮಾತುಗಳನ್ನು ಹೇಳುವ ಆತುರವೇ ಅವರಲ್ಲಿ ಹೆಚ್ಚಾಗಿದ್ದು, ಎಷ್ಟೋ ಬಾರಿ ಇತರರು ಹೇಳುವ ಮಾತುಗಳಲ್ಲಿ ವಾಕ್ಯವೊಂದು ಪೂರ್ಣವಾಗುವುದಕ್ಕೂ ಬಿಡದೇ ತಾವು ತಮ್ಮದನ್ನು ಹೇಳುತ್ತಿರುತ್ತಾರೆ. ತಾವು ತಮ್ಮ ಕತೆ, ಅನುಭವ, ವಿಚಾರ ಇತ್ಯಾದಿಗಳನ್ನೆಲ್ಲಾ ಇತರರಿಗೆ ಹೇಳುವಂತೆ ತಾವೂ ಇತರರದನ್ನು ಕೇಳುವ ಸಹನೆಯನ್ನೂ, ಔದಾರ್ಯವನ್ನೂ, ಹೋಗಲಿ ಕರುಣೆಯನ್ನೂ ತೋರುವುದಿಲ್ಲ.
ಇಂತಹ ಲಕ್ಷಣವು ಇದ್ದರೆ ಮೊದಲು ನಾವು ಅಭ್ಯಾಸ ಮಾಡಬೇಕಾಗಿರುವುದು ಮೌನ.
ನನ್ನ ಎದುರು ಇರುವವರು ಮಾತನಾಡಿದ ಮೇಲೆ ನಾನು ಮಾತಾಡುತ್ತೇನೆ ಎಂಬ ಸ್ಪಷ್ಟವಾದ ಸಂಕಲ್ಪದಿಂದ ಸಂವಹನಕ್ಕೆ ತೊಡಗಬೇಕು. ಒಂದು ವೇಳೆ ಎದುರಿಗೆ ಇರುವವರೂ ದೇವರೇ ಆಗಿದ್ದರೆ, ಸರಿ, ಹಾಳಾಗಿ ಹೋಗಲಿ ದೇವರು ದೇವರುಗಳ ನಡುವೆ ಯುದ್ಧವೇಕೆ ಎಂದು ಸುಮ್ಮನಾಗುವುದು ಅತ್ಯಂತ ಶ್ರೇಯಸ್ಕರ. ಎಂತೂ ಆ ದೇವರು ಈ ದೇವರ ಮಾತು ಕೇಳುವುದಿಲ್ಲ ಎಂಬ ಅರಿವಾಯಿತಲ್ಲಾ. ಈ ದೇವರು ಬಾಯಿಮುಚ್ಚಿಕೊಂಡು ತನ್ನ ಶಕ್ತಿವ್ಯಯ ಮಾಡದಿರುವಷ್ಟು ಜಾಣ ದೇವರಾಗಬೇಕು.
ಈ ದೇವರುಗಳಿಗೆ ಸಾಮಾನ್ಯವಾಗಿ ಒಳಗೊಳಗೆ ತಮ್ಮನ್ನು ಪ್ರಶಂಸಿಸುವುದಿಲ್ಲ, ತಮ್ಮನ್ನು ಪುರಸ್ಕರಿಸುವುದಿಲ್ಲ ಎಂಬ ಖೇದವು ಯಾವಾಗಲೂ ಕೊರೆಯುತ್ತಿರುವ ಕಾರಣದಿಂದ ಉಗ್ರವಾಗಿಯಾದರೂ ಪ್ರಶಂಸೆಯನ್ನು ಪಡೆಯಬೇಕೆಂದು ಎದುರಿರುವವರನ್ನು ಮಣಿಸುವ ಯತ್ನ ಮಾಡುತ್ತಿರುತ್ತಾರೆ. ಅಷ್ಟೇ ಅಲ್ಲದೆ ತಮ್ಮಿಂದ ಯಾವುದೇ ಲೋಪದೋಷವಾದರೂ ಅದನ್ನು ತಾವೇ ಸಮರ್ಥಿಸಿಕೊಂಡು ಅಥವಾ ಸಮಜಾಯಿಷಿ ನೀಡಿಕೊಂಡು ಅದೇನೂ ಅಂತಹ ಘನವಾದ ಲೋಪವೇನಲ್ಲ ಎಂಬ ನಿರ್ಧಾರಕ್ಕೆ ಬಂದುಬಿಡುತ್ತಾರೆ. ಸರಿ, ಈ ಅರಿಮೆ ಇದೆ ಎಂದು ಅರಿವಾಯಿತು. ಮುಂದೆ? ಅರಿಮೆ ಅಮಲೇರಿಸುವುದಾದರೆ ಅರಿವು ಅಮಲಿಳಿಸುವ ಸಾಧನವಷ್ಟೇ. ಅಮಲಿಲ್ಲದೇ ಅವಧಾನದಲ್ಲಿ ಅಡಿಗಳನ್ನಿಟ್ಟರಾಯಿತು.
ಇಂತೀ ದೈವಿಕ ಅರಿಮೆಯ ಪುರಾಣವು ಮುಕ್ತಾಯವಾದುದು.
(ಮುಂದುವರಿಯುವುದು)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಸಿದ್ಧಾಂತ ಮತ್ತು ಪತ್ರಿಕೋದ್ಯಮ

- ಹರ್ಷಕುಮಾರ್ ಕುಗ್ವೆ, ಪತ್ರಕರ್ತ ಮತ್ತು ಆಕ್ಟಿವಿಸ್ಟ್
ಇದು ಸುಮಾರು 2002-03ರ ಸಂದರ್ಭ. ಶಿವಮೊಗ್ಗದಲ್ಲಿ ನಾವು ಹೋರಾಟಗಳಲ್ಲಿ ಸಕ್ರಿಯವಾಗಿದ್ದ ಕಾಲ. ಒಬ್ಬ ಪತ್ರಕರ್ತ ಮಿತ್ರರೊಂದಿಗೆ ಹೀಗೇ ಚರ್ಚೆ ನಡೆಯುತ್ತಿತ್ತು. ಅವರು ಪತ್ರಿಕೋದ್ಯಮದ ನ್ಯೂಟ್ರಾಲಿಟಿ ಕುರಿತು ಮಾತಾಡುತ್ತಾ, ʼನಾವು ಪತ್ರಕರ್ತರು ನಿಮ್ಮ ರೀತಿ ಯೋಚನೆ ಮಾಡೋದಕ್ಕೆ ಆಗಲ್ಲ. ನಾವು ಯಾವತ್ತೂ ಯಾವುದೇ ಸಿದ್ಧಾಂತಕ್ಕೆ ವಾಲಿಕೊಳ್ಳದೇ ತಟಸ್ಥತೆ ಕಾಪಾಡಬೇಕಾಗುತ್ತದೆʼ ಎಂದು ಹೇಳಿದರು. ʼಅವರ ಜೊತೆ ನಾನು ವಾದಿಸಿದೆ.
ಸರ್, ಸುಳ್ಳನ್ನೇ ಬಂಡವಾಳ ಮಾಡಿಕೊಂಡ ಸಿದ್ಧಾಂತಗಳು ರಾರಾಜಿಸುವಾಗ ಸತ್ಯವನ್ನು ಹುಡುಕಲು ಸಹ ಸಿದ್ಧಾಂತದ ಸಹಾಯ ಬೇಕಾಗುತ್ತದೆ. ಯಾವ ವ್ಯಕ್ತಿಯೂ ಸಿದ್ಧಾಂತದ ಹೊರಗಾಗಿ ಇರಲು ಸಾಧ್ಯವಿಲ್ಲ. ನನಗೆ ಸಿದ್ದಾಂತವೇ ಇಲ್ಲ ಎನ್ನುವ ವ್ಯಕ್ತಿಯನ್ನು ಕೂಡಾ ಅವನಿಗೆ ತಿಳಿದೋ ತಿಳಿಯದೆಯೋ ಒಂದಲ್ಲಾ ಒಂದು ಸಿದ್ದಾಂತ ಇಲ್ಲವೇ ಹಲವು ಸಿದ್ಧಾಂತಗಳು ನಿರ್ದೇಶಿಸುತ್ತಿರುತ್ತವಲ್ಲ.. ʼ ಎಂದ ನನ್ನ ಮಾತಿಗೆ ನಮಗೆ ಪತ್ರಕರ್ತರಿಗೆ ಹಾಗೆ ಯೋಚಿಸಲು ಬರುವುದಿಲ್ಲ. ನೀವು ಎಡ ಪಂಥ ಅಂತೀರಿ, ಅವರು ಬಲಪಂಥ ಅಂತಾರೆ, ನಾವು ಇವೆರಡರ ನಡುವೆ ಸತ್ಯ ಹುಡುಕ್ತೀವಿʼ ಎಂದೆಲ್ಲಾ ಹೇಳಿದರು. ಕೊನೆಗೆ ಯಾರೂ ರಾಜಿಯಾಗಲಿಲ್ಲ.
ಇದಾಗಿ ಹದಿನೈದು ವರ್ಷಗಳ ನಂತರ, 2019ರಲ್ಲಿ ಅದೇ ಪತ್ರಕರ್ತ ಸ್ನೇಹಿತರು ನಮ್ಮ ಜೊತೆ ಕೆಲಸ ಮಾಡುತ್ತಿದ್ದರು. ಅವರು ನರೇಂದ್ರ ಮೋದಿ ಸರ್ಕಾರದ ಆರ್ಥಿಕ ವಂಚನೆಗಳನ್ನು ಅದ್ಭುತ ರೀತಿಯಲ್ಲಿ ಅಂಕಿಅಂಶಗಳ ಸಮೇತ ಬಯಲು ಮಾಡುತ್ತಿದ್ದುದು ಕಂಡು ನನಗೆ ಅಚ್ಚರಿ ಮತ್ತು ಸಂತೋಷವಾಗಿತ್ತು. ಅಂದು ಅವರು ನಿಜಕ್ಕೂ ಸತ್ಯದ ಪರವಾಗಿದ್ದರು. ಆದರೆ ಅವರ ಬರೆಹಗಳನ್ನು ಯಾರಾದರೂ ಬಲಪಂಥೀಯರು ಓದಿದರೆ ಅವರಿಗೆ ಖಂಡಿತಾ ಇವರು ʼಎಡಪಂಥೀಯ ಸಿದ್ಧಾಂತಿʼ, ʼನಗರ ನಕ್ಸಲ್ʼ ಎಂದೆಲ್ಲಾ ಸುಲಭವಾಗಿ ಹಣೆಪಟ್ಟಿ ಕಟ್ಟಬಹುದಿತ್ತು. ಆದರೆ ಆ ಪತ್ರಕರ್ತ ಸ್ನೇಹಿತರು ನಿಜಕ್ಕೂ ಈ ದೇಶದ ಭವಿಷ್ಯದ ಬಗ್ಗೆ ತುಂಬಾ ಆತಂಕಗೊಂಡು, ಕಾಳಜಿಯಿಂದ ಕೆಲಸ ಮಾಡುತ್ತಿದ್ದರು. ಕೊನೆಗೆ ಅವರಿಗೂ ಸಹ ಅವರು ಹಿಂದೆ ಹೇಳಿದ್ದ ರೀತಿಯಲ್ಲಿ ತಟಸ್ಥವಾಗಿ ಪತ್ರಿಕೋದ್ಯಮ ನಡೆಸುವುದು ಸಾಧ್ಯವಿಲ್ಲ ಎಂಬ ಅರಿವಾಗಿರಬಹುದು ಎಂದುಕೊಂಡೆ. ಹೌದು ಪತ್ರಕತ್ರರಾದವರು ಮಾಡಲು ಇರುವ ಬಹಳ ಕೆಲಸಗಳ ನಡುವೆಯೂ ಅವರು ಅದ್ಯತೆಯನ್ನು ಗುರುತಿಸಿಕೊಂಡಿದ್ದರು.
ಪತ್ರಿಕೋದ್ಯಮದ ಬಗ್ಗೆ ಮಾತಾಡುವಾಗ ನಾವು ಒಂದು ಪ್ರಾಥಮಿಕ ಸಂಗತಿಯನ್ನು ತಿಳಿದುಕೊಳ್ಳಬೇಕು. ನಮ್ಮ ದೇಶದಲ್ಲಿ ಪತ್ರಿಕೋದ್ಯಮ ಆರಂಭವಾದ ಸಂದರ್ಭದಲ್ಲಿ ಯಾವೆಲ್ಲಾ ಭಾರತೀಯರು ಪತ್ರಿಕೆಗಳನ್ನು ಹೊರತರುತ್ತಿದ್ದರೋ ಅವರೆಲ್ಲರೂ ಕಟು ಸಿದ್ಧಾಂತಿಗಳಾಗಿದ್ದರು. ಸಾಮ್ರಾಜ್ಯವಾದದ ವಿರುದ್ಧದ ಸಿದ್ದಾಂತ ಅವರೆಲ್ಲರನ್ನು ಮುನ್ನಡೆಸುತ್ತಿತ್ತು. ಬಹುತೇಕ ಅವರೆಲ್ಲರೂ ಸ್ವಾತಂತ್ರ್ಯ ಹೋರಾಟಗಾರರು ಇಲ್ಲವೇ ಸ್ವಾಭಿಮಾನ ಚಳವಳಿಯ ಹೋರಾಟಗಾರರು, ನಾಯಕರು ಆಗಿದ್ದರು. ಅಂತಹ ಸ್ಪಷ್ಟ ಸೈದ್ಧಾಂತಿಕ ಬುನಾದಿಯಿಟ್ಟುಕೊಂಡು ಅವರೆಲ್ಲಾ ಬ್ರಿಟಿಷರ ವಿರುದ್ಧ ಪತ್ರಿಕೋದ್ಯಮ ನಡೆಸದಿದ್ದರೆ ಈ ದೇಶದ ಪತ್ರಿಕೋದ್ಯಮದ ಇತಿಹಾಸ ಅತ್ಯಂತ ಟೊಳ್ಳಾದ, ಬೂಸಾ ಇತಿಹಾಸವಾಗುತ್ತಿತ್ತು.
ಕೆಲ ಬ್ರಿಟಿಷ್ ಪತ್ರಕರ್ತರು ಹೇಗೆ ಬ್ರಿಟಿಷ್ ಅಧಿಕಾರಿಗಳ ಬೆಡ್ ರೂಮ್ ಸ್ಟೋರಿಗಳನ್ನು ಚಪ್ಪರಿಸಿಕೊಂಡು ಅದನ್ನೇ ಪತ್ರಿಕೋದ್ಯಮ ಎಂದು ಬೀಗುತ್ತಿದ್ದರೋ ಅಷ್ಟರಲ್ಲೇ ಭಾರತೀಯ ಪತ್ರಿಕೋದ್ಯಮ ಉಳಿದುಬಿಡುತ್ತಿತ್ತು. ಆದರೆ ಹೀಗೆ ಆಗಲು ಬಿಡದೇ ಉದಾತ್ತ ಧ್ಯೇಯಗಳ ಮೂಲಕ ದೇಶದ ಪತ್ರಿಕೋದ್ಯಮ ಬೆಳೆಸಿದ 19ನೆಯ ಶತಮಾನದ ಅಂತಹ ಧೀಮಂತ ಪತ್ರಕರ್ತರು ಹಲವರು. ಸುರೇಂದ್ರ ನಾಥ್ ಬ್ಯಾನರ್ಜಿ (ಬೆಂಗಾಲಿ ಪತ್ರಿಕೆ- 1879) ಪತ್ರಕರ್ತರಾಗಿ ಕೆಲಸ ಮಾಡುತ್ತಲೇ ಸತ್ಯ ಹೇಳಿದ ಕಾರಣಕ್ಕೆ ಬ್ರಿಟಿಷ್ ಸರ್ಕಾರ ಅವರನ್ನು ವರ್ನಾಕ್ಯುಲರ್ ಪ್ರೆಸ್ ಕಾಯ್ದೆಯ ಅಡಿ ಜೈಲಿಗಟ್ಟಿತ್ತು. ಸಂವಾದ ಕೌಮುದಿ ಎಂಬ ಪತ್ರಿಕೆ ನಡೆಸುತ್ತಿದ್ದ ರಾಜಾರಾಮ ಮೋಹನ್ ರಾಯ್ ಒಬ್ಬ ಸ್ಪಷ್ಟ ವಿಚಾರವಾದಿಯಾಗಿದ್ದರು.
ಅವರು ಈ ದೇಶದ ಅನಿಷ್ಟಗಳ ಕುರಿತೇ ತಮ್ಮ ಪತ್ರಿಕೆಯಲ್ಲಿ ಬರೆಯುತ್ತಾ ಹೋದರು. ಇದೇ ಕೆಲಸವನ್ನು ಮಹಾರಾಷ್ಟ್ರದಲ್ಲಿ ಮರಾಠಿ ಪತ್ರಿಕೆ ಆರಂಭಿಸಿದ ಜಂಬೇಕರ್ ಮಾಡಿದರು, ಅವರು ತಮ್ಮ ದರ್ಪಣ್ ಪತ್ರಿಕೆಯ ಮೂಲಕ ಸಾಮಾಜಿಕ ಅನಿಷ್ಟಗಳು ಕುರಿತು ಜಾಗೃತಿ ಮೂಡಿಸಿದರು- ಇವರನ್ನು ಮರಾಠಿ ಪತ್ರಿಕೋದ್ಯಮದ ಪಿತಾಮಹ ಎಂದು ಕರೆಯಲಾಗುತ್ತದೆ. ಬಂಗಾಳದಲ್ಲಿ ಹರೀಶ್ಚಂದ್ರ ರಾಯ್ ಎಂಬುವವರು ಬಂಗದರ್ಶನ್ ಎಂಬ ಪತ್ರಿಕೆ ತಂದರು; ಗುಜರಾತಿಯಲ್ಲಿ ʼಬಾಂಬೆ ಸಮಾಚಾರ್ʼ ಪತ್ರಿಕೆ ಆರಂಭಿಸಿದ ಫರ್ದುನ್ಜಿ ಮರ್ಜ್ ಬಾನ್ ಎಂಬುವವರು ಸಹ ಪತ್ರಿಕೆಯ ಮೂಲಕ ಸಮಾಜ ಸುಧಾರಣೆಗೆ ಒತ್ತು ಕೊಟ್ಟರು. ಇನ್ನು ಸ್ವಾತಂತ್ರ್ಯ ಹೋರಾಟಗಾರರಲ್ಲಿ ಬಾಲಗಂಗಾಧರ ತಿಲಕ್ ಕೇಸರಿ ಮತ್ತು ಮರಾಟಾ ಪತ್ರಿಕೆ ಹೊರಡಿಸುತ್ತಿದ್ದರು, ಗಾಂದೀಜಿಯವರು ಆಫ್ರಿಕಾದಲ್ಲಿದ್ದಾಗಲೇ ಇಂಡಿಯನ್ ಒಪಿನಿಯನ್ ಪತ್ರಿಕೆ ನಡೆಸುತ್ತಿದ್ದರೆ, ಭಾರತಕ್ಕೆ ಬಂದ ಮೇಲೆ ಯಂಗ್ ಇಂಡಿಯಾ ಮತ್ತು ಹರಿಜನ್ ಎಂಬ ಪತ್ರಿಕೆಗಳನ್ನು ಹೊರತಂದರು,
ಸುಭಾಷ್ ಚಂದ್ರ ಬೋಸ್ ಅವರು ಸ್ವರಾಜ್ ಪತ್ರಿಕೆಯ ಸಂಪಾದಕರಾಗಿದ್ದರು, ಲಾಲಾ ಲಜಪತ್ ರಾಯ್ ಅವರು ದ ಟ್ರಿಬ್ಯೂನ್ ಎಂಬ ಇಂಗ್ಲಿಷ್ ಪತ್ರಿಕೆ ತಂದರು, ಜೊತೆಗೆ ವಂದೆ ಮಾತರಂ ಎಂಬ ಉರ್ದು ಪತ್ರಿಕೆಯನ್ನೂ ಪ್ರಕಟಿಸುತ್ತಿದ್ದರು- ಇವುಗಳ ಮೂಲಕ ಸ್ವದೇಶಿ ಚಿಂತನೆಯನ್ನು ಅಥವಾ ಸಿದ್ಧಾಂತವನ್ನು ಪ್ರಚುರಪಡಿಸಿದರು, ಹೋಂರೂಲ್ ಚಳವಳಿಯ ಮುಂದಾಳು ಅನಿಬೆಸೆಂಟ್ ಅವರು ನ್ಯೂ ಇಂಡಿಯಾ ಪತ್ರಿಕೆ ತಂದರು, ಇನ್ನು ಮದನ್ ಮೋಹನ್ ಮಾಳವೀಯ ಅವರು ಮೋತಿಲಾಲ್ ನೆಹರೂ ಜೊತೆ ಸೇರಿಕೊಂಡು ದ ಲೀಡರ್ ಎಂಬ ಪತ್ರಿಕೆ ತಂದರೆ, ನಂತರ ಹಿಂದೂಸ್ತಾನ್ ಟೈಮ್ಸ್ ಪತ್ರಿಕೆಯನ್ನೂ ಪುನರುಜ್ಜೀವಗೊಳಿಸಿದರು. ಇನ್ನು ಡಾ. ಬಿ.ಆರ್. ಅಂಬೇಡ್ಕರ್ ಅವರು ʼಅಸ್ಪೃಶ್ಯರಿಗೆ ಈ ದೇಶದಲ್ಲಿ ಪತ್ರಿಕೆಯಿಲ್ಲʼ ಎಂದು ಘೋಷಿಸಿ ಮೊದಲಿಗೆ ಶಾಹು ಮಹಾರಾಜರ ಬೆಂಬಲದಿಂದ ಮೂಕನಾಯಕ ಪತ್ರಿಕೆ (1920) ತಂದರು; ನಂತರ ಬಹಿಷ್ಕೃತ ಭಾರತ (1927), ನಂತರ ಸಮತಾ (1928), ನಂತರ ಜನತಾ (1930) ಹಾಗೂ ಪ್ರಬುದ್ಧ ಭಾರತ (1956) ಪತ್ರಿಕೆಗಳನ್ನು ಹೊರಡಿಸಿ ನಿರಂತರವಾಗಿ ಅವುಗಳಲ್ಲಿ ಬರೆಯುತ್ತಾ ತಾವೊಬ್ಬ ಧೀಮಂತ ಪತ್ರಕರ್ತ ಎಂಬುದನ್ನೂ ನಿರೂಪಿಸಿದ್ದರು.
ಇವರನ್ನೆಲ್ಲಾ ಹೊರಗಿಟ್ಟು ಕೇವಲ ಬ್ರಿಟಿಷರು ತಂದ ಬೆಂಗಾಲ್ ಗೆಜೆಟ್ ನಂತವುಗಳನ್ನು ಮಾತ್ರವೇ ಭಾರತದ ಪತ್ರಿಕೋದ್ಯಮದ ಇತಿಹಾಸ ಎಂದು ಹೇಳಲು ಬರುತ್ತದೆಯೇ? ಈ ದೇಶದ ಪತ್ರಿಕೋದ್ಯಮದ ಇತಿಹಾಸದ ಸೈದ್ಧಾಂತಿಕ ಅಡಿಪಾಯ ಅತ್ಯಂತ ಭದ್ರವಾಗಿತ್ತು ಎಂಬುದಕ್ಕೆ ಇವೆಲ್ಲಾ ಸಾಕ್ಷಿಯಲ್ಲವೆ? ಅಲ್ಲಿ ಎಡಬಿಡಂಗಿತನಕ್ಕೆ, ಸೊ ಕಾಲ್ಡ್ ತಟಸ್ಥತೆಗೆ ಯಾವುದೇ ಅವಕಾಶವಿರಲಿಲ್ಲ. ಈ ದೇಶವನ್ನು ಕಾಡುತ್ತಿದ್ದ ಸಾಮ್ರಾಜ್ಯಶಾಹಿ ಮತ್ತು ಬ್ರಾಹ್ಮಣಶಾಹಿ ಶಕ್ತಿಗಳನ್ನು ನೇರವಾಗಿ ಎದುರಿಸಿಯೇ ಭಾರತದ ಪತ್ರಿಕೋದ್ಯಮ ನಡೆದುಕೊಂಡುಬಂದಿದೆ ಎಂಬುದಕ್ಕೆ ಮೇಲಿನ ಉದಾಹರಣೆಗಳೇ ಸಾಕ್ಷಿ.
ಸ್ವಾತಂತ್ರ್ಯಾನಂತರದಲ್ಲಿ, ನಮ್ಮ ಕರ್ನಾಟಕದಲ್ಲೇ ನಾವು ಯಾರನ್ನೆಲ್ಲಾ ಇಂದು ಧೀಮಂತ ಪತ್ರಕರ್ತರೆಂದು ಪರಿಗಣಿಸಿದ್ದೇವೆಯೋ, ಯಾರನ್ನೆಲ್ಲಾ ಆದರ್ಶ ಎಂದು ನೋಡುತ್ತೇವೆಯೋ ಅವರೆಲ್ಲರೂ ಅತ್ಯಂತ ಸ್ಪಷ್ಟ ಮತ್ತು ದೃಢವಾದ ಸಿದ್ಧಾಂತಿಗಳೇ ಆಗಿದ್ದರು ಎಂಬುದನ್ನು ಮರೆಯಬಾರದು. ಕರ್ನಾಟಕದ ಪತ್ರಿಕೋದ್ಯಮಕ್ಕೇ ಹೊಸ ಮೆರಗು ತಂದು ಸಂಚಲನ ಮೂಡಿಸಿದ ಪಿ. ಲಂಕೇಶ್ ಅವರು ಕಡಿಮೆ ಸಿದ್ಧಾಂತಿಯೇ? ಸ್ಪಷ್ಟ ಸೈದ್ಧಾಂತಿಕ ತಳಹದಿಯ ಪತ್ರಿಕೋದ್ಯಮವೇ ಅವರ ಆಕ್ಟಿವಿಸಂ ಆಗಿತ್ತು ಮಾತ್ರವಲ್ಲ ಪತ್ರಿಕೋದ್ಯಮದ ಮೂಲಕ ಸಾಮಾಜಿಕ ರಾಜಕೀಯ ಬದಲಾವಣೆಯನ್ನೂ ಮಾಡಲು ಸಾಧ್ಯ ಎಂದು ಪಿ ಲಂಕೇಶ್ ಒಂದು ಮಾದರಿಯನ್ನೇ ಸೃಷ್ಟಿಸಿದರು. ಅದು ಸಾಧ್ಯವಾಗಿದ್ದೇ ಅವರ ಕಟಿಬದ್ಧ ಸೈದ್ಧಾಂತಿಕ ನಿಲುವಿನಿಂದ.
ನಾಡು ಕಂಡ ಮತ್ತೊಬ್ಬ ಧೀಮಂತ ಪತ್ರಕರ್ತ ವಡ್ಡರ್ಸೆ ರಘುರಾಮ್ ಶೆಟ್ಟಿ ಕೂಡಾ ಗಟ್ಟಿ ತಾತ್ವಿಕ ನಿಲುವುಗಳ ಮೂಲಕ ನಾಡಿನ ಜನರನ್ನು ತಲುಪಿದರು. ಇನ್ನು 70-80ರ ದಶಕಗಳಲ್ಲಿ ಭಾರತೀಯ ಪತ್ರಿಕೋದ್ಯಮದ ಧೀಮಂತ ಪರಂಪರೆಯಲ್ಲಿ ಸಾಗಿದ ಹಲವಾರು ಕನ್ನಡ ಪತ್ರಿಕೆಗಳಿದ್ದವು- ಸುದ್ದಿ ಸಂಗಾತಿ, ಶೂದ್ರ, ಪಂಚಮ, ಸಮುದಾಯ, ಸಂಕ್ರಮಣ ಮುಂತಾದ ನಿಯತಕಾಲಿಕೆಗಳು ಕನ್ನಡಿಗರ ಅರಿವಿನ ವಿಸ್ತರಣೆಯಲ್ಲಿ ಕಡಿಮೆ ಕೆಲಸ ಮಾಡಿವೆಯೇ? ಹಾಗಾದರೆ ಇವೆಲ್ಲವೂ ಖಚಿತ ಸೈದ್ದಾಂತಿಕತೆಯಿಂದಲೇ ನಡೆಯಲಿಲ್ಲವೇ?
ಇನ್ನು ಕಳೆದ ಕೆಲವು ದಶಕಗಳಲ್ಲಿ, ಅಗ್ನಿ, ಹಾಯ್ ಬೆಂಗಳೂರು, ಗೌರಿ ಲಂಕೇಶ್ ವಾರಪತ್ರಿಗಳೂ ತಮ್ಮ ಛಾಪು ಮೂಡಿಸಿದವು. ಪಿ ಲಂಕೇಶರ ಸ್ಪೂರ್ತಿಯಲ್ಲೇ ದೊಡ್ಡ ದೊಡ್ಡ ಭ್ರಷ್ಟಾಚಾರ ಪ್ರಕರಣಗಳನ್ನು ಅನಾವರಣಗೊಳಿಸಿದವು. ಇದ್ದುದರಲ್ಲಿ ರವಿ ಬೆಳಗರೆ ಎಡಬಿಡಂಗಿಯಾಗಿ ಕ್ರೈಂ, ಸೆಕ್ಸ್ ಗಳನ್ನ ಅಸ್ತ್ರವಾಗಿಸಿಕೊಂಡು ಟ್ಯಾಬ್ಲಾಯ್ಡ್ ಪತ್ರಿಕೋದ್ಯಮವನ್ನು ಹಳ್ಳ ಹಿಡಿಸಿದರೂ ಹಾಯ್ ಬೆಂಗಳೂರು ಸಹ ಅನೇಕ ಬ್ರಷ್ಟಾಚಾರ ಹಗರಣಗಳನ್ನು ಬಯಲು ಮಾಡಿದ್ದು ಸತ್ಯ.
ಯಾವನ್ನು ನಾವು ದಿನಪತ್ರಿಕೆಗಳು ಅಥವಾ ವೃತ್ತ ಪತ್ರಿಕೆಗಳು ಎನ್ನುತ್ತೇವೆಯೋ ಇವುಗಳ ಆದ್ಯತೆ ದಿನನಿತ್ಯದ ಸುದ್ದಿಗಳನ್ನು ಜನರಿಗೆ ತಲುಪುವುದು ಮಾತ್ರವಾಗಿದ್ದ ಕಾರಣ ಬಹಳ ಪತ್ರಿಕೆಗಳಲ್ಲಿ ಸೈದ್ಧಾಂತಿಕತೆ ದೊಡ್ಡ ವಿಷಯವಾಗಲಿಲ್ಲ. ಆದರೆ ಅಂತಹ ಕಡೆಗಳಲ್ಲಿ ಸಹ ದೊಡ್ಡ ದೊಡ್ಡ ಸಿದ್ಧಾಂತಿಗಳು ಹತ್ತಾರು ವರ್ಷಗಳ ಕಾಲ ಕೆಲಸ ಮಾಡಿದ್ದರು ಮತ್ತು ತಮ್ಮ ಖಚಿತ ಅಭಿಪ್ರಾಯಗಳನ್ನು ಆ ವೇದಿಕೆಗಳ ಮೂಲಕ ಜನರಿಗೆ ತಲುಪಿಸುತ್ತಾ ಬಂದಿದ್ದರೆಂಬುದನ್ನು ನಾವು ಮರೆಯಕೂಡದು.
ಈಗ ಹೇಳಿ, ನಮ್ಮ ಪತ್ರಿಕೋದ್ಯಮಕ್ಕೆ ಸಿದ್ಧಾಂತ ಬೇಡವೆ, ಪತ್ರಕರ್ತರಾಗಿರುವವರು ಸೈದ್ಧಾಂತಿಕ ಸ್ಪಷ್ಟತೆ ಹೊಂದಿರಬಾರದೆ? ಆಕ್ಟಿವಿಸ್ಟುಗಳು ಪತ್ರಕರ್ತರಾಗುವುದು ಅಪರಾಧವೆ? ಪತ್ರಿಕೋದ್ಯಮ ಆಕ್ಟಿವಿಸಂಗೆ ಪೂರಕವಾಗಿರಬಾರದೆ? ಇಂದು ಬ್ರಾಹ್ಮಣ್ಯದ ದಿಗ್ವಿಜಯ ಮತ್ತೊಮ್ಮೆ ನಿಜವಾಗುವ ಕರಾಳ ಛಾಯೆ ಇಡೀ ದೇಶವನ್ನು ಆವರಿಸಿಕೊಂಡಿರುವಾಗ, ಬಾಬಾಸಾಹೇಬರು ಎಚ್ಚರಿಸಿದ್ದ ಆ ʼಪ್ರತಿಕ್ರಾಂತಿʼ ತನ್ನ ಕಬಂಧಬಾಹುಗಳನ್ನು ಚಾಚಿಕೊಂಡ ಎಲ್ಲವನ್ನೂ ನೊಣೆಯುತ್ತಿರುವಾಗ, ಅಪರಾಧವೇ ಅಧಿಕಾರವಾಗಿ ದೇಶದ ಪ್ರಮುಖ ಸಂಸ್ಥೆಗಳೆಲ್ಲವನ್ನೂ ನುಂಗಿ ನೀರುಕುಡಿದು ತಮ್ಮ ಅಂಕೆಯಲ್ಲಿ ತಂದುಕೊಂಡು ಇಡೀ ದೇಶದ ಜನರಿಗೆ ಕರಾಳತೆ ದರ್ಶನ ಮಾಡುತ್ತಾ ಭ್ರಷ್ಟಾಚಾರದ ವ್ಯಾಖ್ಯಾನವನ್ನೇ ತಿರುಗುಮರುಗು ಮಾಡುತ್ತಿರುವಾಗ ಸೊ ಕಾಲ್ಡ್ ತಟಸ್ಥತೆಯ ಬದನೇಕಾಯಿಯನ್ನು ನೆಚ್ಚಿಕೊಳ್ಳದೇ ನಿರ್ಧಾರಿತ ಜನಾಂದೋಲನಗಳಿಗೆ ಪೂರಕವಾಗಿ ಪತ್ರಿಕೋದ್ಯಮ ಮತ್ತು ಪತ್ರಕರ್ತರಾದವರು ಜೊತೆಗೂಡುವುದು ಬೇಡವೇ?
‘ಬೇಡ’ ಎಂಬ ಅಭಿಪ್ರಾಯ ನಿಮ್ಮದಾಗಿದ್ದರೆ ನಿಮ್ಮ ಬಳಿ ಹೇಳಲು ನನಗೆ ಏನೂ ಉಳಿದಿಲ್ಲ. ನೀವು ನಿಮ್ಮದೇ ಸುಖಾಸನದಲ್ಲಿ ನೆಮ್ಮದಿಯಾಗಿ ಪವಡಿಸಬಹುದು, ನನಗೇನೂ ಅಭ್ಯಂತರವಿಲ್ಲ. (ಬರಹ- ಹರ್ಷಕುಮಾರ್ ಕುಗ್ವೆ, ಪತ್ರಕರ್ತ ಮತ್ತು ಆಕ್ಟಿವಿಸ್ಟ್)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಮಹಿಳಾ ದಿನಾಚರಣೆ | ಸಾಧನೆಯ ಸುಗಂಧ, ಪ್ರೇರಣೆಯ ಬೆಳಕು

- ಡಾ. ವೆಂಕಟೇಶ ಬಾಬು ಎಸ್, ಸಹ ಪ್ರಾಧ್ಯಾಪಕರು, ದಾವಣಗೆರೆ
ಇಂದು ಮಹಿಳಾ ದಿನಾಚರಣೆ ಪ್ರಯುಕ್ತ ಎಲ್ಲಾ ಮಹಿಳೆಯರಿಗೆ ಶುಭಾಷಯಗಳು
ಪ್ರತಿಯೊಂದು ಮಹಿಳೆ ತನ್ನ ಜೀವನದಲ್ಲಿ ವಿವಿಧ ಹಂತಗಳನ್ನು ದಾಟುತ್ತಾ, ಆತ್ಮವಿಶ್ವಾಸ, ಪ್ರೇರಣೆ ಹಾಗೂ ಶಕ್ತಿ ಹೊಂದುವ ಪ್ರತಿರೂಪವಾಗಿರುತ್ತಾರೆ. ವಿಶ್ವ ಮಹಿಳಾ ದಿನವನ್ನು ಪ್ರತಿ ವರ್ಷ ಮಾರ್ಚ್ 8 ರಂದು ಆಚರಿಸಲಾಗುತ್ತದೆ, ಇದು ಮಹಿಳೆಯರ ಹಕ್ಕುಗಳು, ಸಾಧನೆಗಳು ಮತ್ತು ಅವರ ಜಗತ್ತಿನ ಮೇಲೆ ಬೀರಿದ ಪ್ರಭಾವವನ್ನು ಗೌರವಿಸುವ ಒಂದು ಅದ್ಭುತ ಅವಕಾಶ.
ಮಹಿಳೆಯರ ಬದುಕು ಕೇವಲ ಕುಟುಂಬದ ಕೇಂದ್ರದಲ್ಲಿಯೇ ಸೀಮಿತವಾಗಿಲ್ಲ; ಅವರು ಸಾಮಾಜಿಕ, ಶೈಕ್ಷಣಿಕ, ರಾಜಕೀಯ, ಆರ್ಥಿಕ ಮತ್ತು ವೈಜ್ಞಾನಿಕ ಕ್ಷೇತ್ರಗಳಲ್ಲೂ ಮಹತ್ತರ ಪಾತ್ರ ವಹಿಸುತ್ತಿದ್ದಾರೆ. ಅಮ್ಮನಾಗಿ, ಪತ್ನಿಯಾಗಿ, ಮಗುವಾಗಿ, ಸಂಸ್ಥಾಪಕಿಯಾಗಿ, ನಾಯಕಿಯಾಗಿ, ವೈಜ್ಞಾನಿಕರಾಗಿ, ಕ್ರೀಡಾಪಟುವಾಗಿ – ಎಲ್ಲಾ ಪಾತ್ರಗಳಲ್ಲೂ ಮಹಿಳೆಯರು ತಮ್ಮ ಅದ್ಭುತ ಸಾಮರ್ಥ್ಯವನ್ನು ತೋರಿಸುತ್ತಿದ್ದಾರೆ.
ಈಗ ಮಹಿಳೆಯರು ತಮ್ಮ ಇಚ್ಛಾಶಕ್ತಿಯೊಂದಿಗೆ ಮತ್ತು ಶಿಕ್ಷಣದ ಹಾದಿಯ ಮೂಲಕ ಜೀವನವನ್ನು ರೂಪಿಸಿಕೊಳ್ಳುತ್ತಿದ್ದಾರೆ. ಇಂದು ಕಲ್ಪನಾ ಚಾವ್ಲಾ, ಮೇರೀ ಕೋಮ್, ಸುಧಾ ಮುರ್ತಿ, ಕಿರಣ್ ಮಜುಂದಾರ್ ಶಾ, ಫಾಲ್ಗುಣಿ ನಾಯರ್ ಮುಂತಾದ ಅನೇಕ ಮಹಿಳೆಯರು ತಮ್ಮ ಕ್ಷೇತ್ರಗಳಲ್ಲಿ ಅಪೂರ್ವ ಸಾಧನೆ ಮಾಡುತ್ತಿದ್ದಾರೆ.
ಮಹಿಳಾ ದಿನಾಚರಣೆ – ಇತಿಹಾಸ ಮತ್ತು ಹಿನ್ನೆಲೆ
ಮಹಿಳಾ ದಿನಾಚರಣೆ (International Women’s Day – IWD) ಪ್ರತಿ ವರ್ಷ ಮಾರ್ಚ್ 8 ರಂದು ಆಚರಿಸಲಾಗುತ್ತದೆ. ಇದು ಮಹಿಳೆಯರ ಹಕ್ಕುಗಳು, ಸಶಕ್ತೀಕರಣ, ಸಾಧನೆಗಳು ಮತ್ತು ಲಿಂಗ ಸಮಾನತೆಯ ಪ್ರಗತಿ ಕುರಿತು ಜಾಗೃತಿಯನ್ನು ಮೂಡಿಸುವ ಮಹತ್ವದ ದಿನ.
ಮಹಿಳಾ ದಿನಾಚರಣೆಯ ಇತಿಹಾಸ
ಮಹಿಳಾ ದಿನಾಚರಣೆಯ ಮೂಲವು 1900ರ ದಶಕದ ಪ್ರಾರಂಭದಲ್ಲಿ ಕೈಗೆತ್ತಿಕೊಳ್ಳಲಾದ ಮಹಿಳಾ ಹಕ್ಕುಗಳ ಹೋರಾಟಕ್ಕೆ ಸರಿಹೊಂದಿದೆ. ಈ ದಿನವನ್ನು ಆಚರಿಸಲು ಪ್ರೇರಣೆ ನೀಡಿದ ಪ್ರಮುಖ ಘಟನೆಗಳು ಹೀಗಿವೆ:
1. 1908 – ಮಹಿಳಾ ಹಕ್ಕುಗಳ ಹೋರಾಟ:
ಅಮೇರಿಕಾದ ನ್ಯೂಯಾರ್ಕ್ ನಗರದಲ್ಲಿ ಸಾವಿರಾರು ಮಹಿಳಾ ಕಾರ್ಮಿಕರು ಕಡಿಮೆ ಕೆಲಸದ ಘಂಟೆಗಳು, ಉತ್ತಮ ಸಂಬಳ ಮತ್ತು ಮತದಾನದ ಹಕ್ಕುಕ್ಕಾಗಿ ಪ್ರತಿಭಟನೆ ನಡೆಸಿದರು.
2. 1909 – ಮೊದಲ ಮಹಿಳಾ ದಿನಾಚರಣೆ:
ಫೆಬ್ರವರಿ 28, 1909 ರಂದು ಅಮೆರಿಕಾದ ಸೋಶಲಿಸ್ಟ್ ಪಾರ್ಟಿ ದೇಶದಾದ್ಯಂತ ಮಹಿಳಾ ದಿನವನ್ನು ಆಚರಿಸಿತು.
3. 1910 – ಅಂತಾರಾಷ್ಟ್ರೀಯ ಹೋರಾಟ:
ಡೆನ್ಮಾರ್ಕ್ನ ಕೊಪನ್ಹೇಗನ್ ನಲ್ಲಿ ನಡೆದ ಸೋಶಲಿಸ್ಟ್ ವುಮೆನ್ಸ್ ಕಾನ್ಫರೆನ್ಸ್ ನಲ್ಲಿ ಜರ್ಮನಿಯ ಕ್ಲಾರಾ ಜೆಟ್ಕಿನ್ ಅವರು ಪ್ರಪಂಚದಾದ್ಯಂತ ಮಹಿಳಾ ದಿನ ಆಚರಿಸುವ ಸಲಹೆ ನೀಡಿದರು.
4. 1911 – ಪ್ರಥಮ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ:
ಮೊದಲ ಬಾರಿ ಆಸ್ಟ್ರಿಯಾ, ಡೆನ್ಮಾರ್ಕ್, ಜರ್ಮನಿ ಮತ್ತು ಸ್ವಿಟ್ಜರ್ಲೆಂಡ್ ದೇಶಗಳಲ್ಲಿ ಮಹಿಳಾ ದಿನವನ್ನು ಮಾರ್ಚ್ 19ರಂದು ಆಚರಿಸಲಾಯಿತು.
5. 1913 – ಮಾರ್ಚ್ 8ಕ್ಕೆ ದಿನಾಂಕ ಬದಲಾವಣೆ:
1913ರಿಂದ ಮಾರ್ಚ್ 8ನೇ ತಾರೀಖನ್ನು ಅಧಿಕೃತವಾಗಿ ಮಹಿಳಾ ದಿನಾಚರಣೆಗೆ ಮೀಸಲಾಗಿಸಲಾಯಿತು.
6. 1975 – ವಿಶ್ವ ಮಹಿಳಾ ವರ್ಷ:
UNO1975ನೇ ವರ್ಷವನ್ನು “ಅಂತರಾಷ್ಟ್ರೀಯ ಮಹಿಳಾ ವರ್ಷ” ಎಂದು ಘೋಷಿಸಿ, ಮಹಿಳಾ ದಿನವನ್ನು ಅಧಿಕೃತವಾಗಿ ಅಂಗೀಕರಿಸಿತು
7. 2011 – 100ನೇ ವಾರ್ಷಿಕೋತ್ಸವ:
2011ರಲ್ಲಿ ಮಹಿಳಾ ದಿನಾಚರಣೆ ಶತಮಾನೋತ್ಸವವನ್ನು ಪೂರೈಸಿತು.
ಮಹಿಳಾ ದಿನಾಚರಣೆಯ ಉದ್ದೇಶ
ಮಹಿಳಾ ದಿನವನ್ನು ಆಚರಿಸುವ ಪ್ರಮುಖ ಉದ್ದೇಶಗಳು:
✔ ಮಹಿಳಾ ಸಮಾನತೆ ಮತ್ತು ಹಕ್ಕುಗಳನ್ನು ಬಲಪಡಿಸುವುದು.
✔ ಮಹಿಳೆಯರ ಸಾಧನೆಗಳನ್ನು ಗುರುತಿಸಿ, ಗೌರವ ನೀಡುವುದು.
✔ ಅವರ ಸಮಸ್ಯೆಗಳನ್ನು ಅರಿತು, ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕೆಲಸ ಮಾಡುವುದು.
✔ ಮಹಿಳಾ ಶಕ್ತಿ ಮತ್ತು ಸ್ವಾವಲಂಬನೆಯ ಕುರಿತು ಜಾಗೃತಿಯನ್ನು ಹರಡುವುದು.
ಮಹಿಳಾ ದಿನಾಚರಣೆ – ಇಂದಿನ ಪ್ರಸ್ತುತತೆ
ಇಂದಿನ ಹೊತ್ತಿನಲ್ಲಿ, ಮಹಿಳೆಯರು ಶಿಕ್ಷಣ, ಉದ್ಯಮ, ರಾಜಕೀಯ, ಕ್ರೀಡೆ, ವಿಜ್ಞಾನ, ತಂತ್ರಜ್ಞಾನ, ಸೇವಾ ಕ್ಷೇತ್ರ ಮತ್ತು ಉದ್ಯಮಶೀಲತೆ ಎಲ್ಲೆಲ್ಲಿಯೂ ತಮ್ಮ ಸಾಮರ್ಥ್ಯವನ್ನು ತೋರಿಸುತ್ತಿದ್ದಾರೆ. ಮಹಿಳಾ ದಿನವು “Gender Equality – ಲಿಂಗ ಸಮಾನತೆ”, “Break the Bias – ಲಿಂಗತಾತ್ವಿಕ ಭೇದಭಾವವನ್ನು ಕಳಚುವುದು”, “DigitALL: Innovation and technology for gender equality” ಮುಂತಾದ ವಿಶೇಷ ಥೀಮ್ಗಳೊಂದಿಗೆ ಪ್ರತಿವರ್ಷ ಜಾಗೃತಿಯನ್ನು ಮೂಡಿಸುತ್ತದೆ.
ಮಹಿಳೆಯರು ಬದುಕಿನ ಉತ್ಸಾಹ
ಮಹಿಳೆಯರು ತಮ್ಮ ಕುಟುಂಬ, ಸಮಾಜ ಮತ್ತು ದೇಶದ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ಅವರಲ್ಲಿರುವ ಹೃದಯಸ್ಪರ್ಶಿ ಭಾವನೆ, ತ್ಯಾಗ, ಶ್ರಮ ಹಾಗೂ ಪ್ರೀತಿ ಅವರ ಬದುಕಿನ ಹಾದಿಯನ್ನು ಮಾದರಿಯಾಗಿ ಮಾಡುತ್ತದೆ. ಶಿಕ್ಷಣ, ಉದ್ಯೋಗ, ರಾಜಕೀಯ, ಕಲೆ, ಕ್ರೀಡೆ, ವಿಜ್ಞಾನ ಹೀಗೆ ಎಲ್ಲಾ ಕ್ಷೇತ್ರಗಳಲ್ಲೂ ಮಹಿಳೆಯರು ತಮ್ಮ ಪ್ರತಿಭೆಯನ್ನು ತೋರಿಸುತ್ತಿದ್ದಾರೆ.
ಅನೇಕ ಮಹಿಳೆಯರು ಸಂಕಷ್ಟಗಳನ್ನು ಎದುರಿಸುತ್ತಾ, ಸಾಧನೆಗೆ ಹೊಸ ಪರಿಮಾಣ ನೀಡಿದ ಉದಾಹರಣೆಗಳಿವೆ. ಐದು ದಶಕಗಳ ಹಿಂದೆಯೂ ಮಹಿಳೆಯರು ಮನೆಯಲ್ಲಿ ಸೀಮಿತವಾಗಿದ್ದರೆ, ಇಂದು ಅವರು ಅಂತರಿಕ್ಷ ಯಾತ್ರೆ, ವ್ಯವಹಾರ ನಿರ್ವಹಣೆ, ಕಾನೂನು, ತಂತ್ರಜ್ಞಾನ, ಆಡಳಿತ ಮತ್ತು ರಾಜಕೀಯದಲ್ಲಿ ಮುಂಚೂಣಿಯಲ್ಲಿದ್ದಾರೆ.
ಸಾಧನೆಗಳ ಬೆಳಕು
1. ಶಿಕ್ಷಣ ಮತ್ತು ಸಶಕ್ತೀಕರಣ:
ಜಗತ್ತಿನ ಅನೇಕ ದೇಶಗಳಲ್ಲಿ ಈಗ ಮಹಿಳಿಯರಿಗೆ ಶಿಕ್ಷಣ ಹಕ್ಕುಗಳನ್ನು ಒದಗಿಸಲಾಗುತ್ತಿದೆ, ಇದರಿಂದ ಮಹಿಳೆಯರು ಸಮಾಜದ ಮುಖ್ಯಧಾರೆಯಲ್ಲಿರಲು ಸಾಧ್ಯವಾಗಿದೆ. ಭಾರತದಲ್ಲಿ ಸವಿತ್ರಿಬಾಯಿ ಫುಲೆ, ಇಂದಿರಾ ಗಾಂಧಿ, ಕಲ್ಪನಾ ಚಾವ್ಲಾ, ಮೇರೀ ಕೋಮ್ ಮುಂತಾದವರು ಮಹಿಳಾ ಶಿಕ್ಷಣ ಮತ್ತು ಸಶಕ್ತೀಕರಣದಲ್ಲಿ ಶ್ರೇಷ್ಠ ಸಾಧನೆ ಮಾಡಿದ್ದಾರೆ.
2. ಉದ್ಯೋಗ ಹಾಗೂ ಉದ್ಯಮಶೀಲತೆ:
ಈಗ ಮಹಿಳೆಯರು ಉದ್ಯೋಗ ಮಾತ್ರವಲ್ಲದೆ, ಸ್ವಂತ ಉದ್ಯಮಗಳನ್ನು ನಿರ್ಮಿಸಿ ಉದ್ಯಮಶೀಲತೆ ತೋರಿಸುತ್ತಿದ್ದಾರೆ. ಫಾಲ್ಗುಣಿ ನಾಯರ್ (ನೈಕಾ), ಕಿರಣ್ ಮಜುಂದಾರ್ ಶಾ (ಬಯೋಕಾನ್), ವಂದನಾ ಲೂತರ (ಪೇಪರ್ ಶೈರಿ) ಮುಂತಾದವರು ಉದ್ಯಮ ವಲಯದಲ್ಲಿ ತಮ್ಮ ಅಚ್ಚಳಿಯದ ಗುರುತು ಮೂಡಿಸಿದ್ದಾರೆ.
3. ಕ್ರೀಡೆ ಮತ್ತು ಸಾಹಸ:
ಕ್ರೀಡಾ ಕ್ಷೇತ್ರದಲ್ಲಿ ಮಹಿಳೆಯರು ಹೊಸ ದಾಖಲೆಗಳನ್ನು ನಿರ್ಮಿಸಿದ್ದಾರೆ. ಸೈನಾ ನೆಹ್ವಾಲ್, ಮೇರೀ ಕೋಮ್, ಪಿ.ವಿ. ಸಿಂಧು, ಮಿಥಾಲಿ ರಾಜ್ ಮುಂತಾದವರು ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತದ ಹೆಮ್ಮೆ ಹೆಚ್ಚಿಸಿದ್ದಾರೆ.
4. ಸಮಾಜಸೇವೆ ಮತ್ತು ಪ್ರಭಾವ:
ಮಹಿಳೆಯರು ಕೇವಲ ತಮ್ಮ ವ್ಯಕ್ತಿಗತ ಜೀವನದಲ್ಲಷ್ಟೇ ಅಲ್ಲದೆ, ಸಮಾಜಸೇವೆಯಲ್ಲಿ ಕೂಡ ದೊಡ್ಡ ಕೊಡುಗೆ ನೀಡುತ್ತಿದ್ದಾರೆ. ಮದರ್ ತೆರೆಸಾ, ಸುಧಾ ಮುರ್ತಿ ಮುಂತಾದವರು ತಮ್ಮ ಸಮಾಜಮುಖಿ ಕಾರ್ಯಗಳಿಂದ ಲಕ್ಷಾಂತರ ಜನರಿಗೆ ಪ್ರೇರಣೆ ನೀಡಿದ್ದಾರೆ.
ಸಮಾಜದ ಹೊಣೆಗಾರಿಕೆ – ಮಹಿಳಾ ಸಮಾನತೆ ಮತ್ತು ಗೌರವ
ಮಹಿಳೆಯರನ್ನು ಗೌರವಿಸುವ, ಅವರ ಆತ್ಮವಿಶ್ವಾಸ ಹೆಚ್ಚಿಸುವ, ಅವರಿಗೆ ಸಮಾನ ಅವಕಾಶ ಒದಗಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ. ಮಹಿಳಾ ಸುರಕ್ಷತೆ, ಸಂವೇದನಾಶೀಲತೆ ಮತ್ತು ಗೌರವ ಹೊಂದಿದ ಸಮಾಜವನ್ನು ನಿರ್ಮಿಸುವುದು ಅನಿವಾರ್ಯ.
ನಮ್ಮ ಕರ್ತವ್ಯ – ಮಹಿಳಾ ಶಕ್ತಿಗೆ ಸಾಥ್
ಈ ಮಹಿಳಾ ದಿನಾಚರಣೆ ದಿನದಂದು ನಾವು ನಮ್ಮ ಜೀವನದಲ್ಲಿ ಶಕ್ತಿ, ಪ್ರೇರಣೆ, ಪ್ರೀತಿಯ ಬೆಳಕು ತುಂಬುವ ಮಹಿಳೆಯರಿಗೆ ಕೃತಜ್ಞತೆ ಸಲ್ಲಿಸೋಣ. ಅವರ ಸಾಧನೆಗಳನ್ನು ಗೌರವಿಸೋಣ ಮತ್ತು ಹೊಸ ತಲೆಮಾರಿನ ಮಹಿಳೆಯರಿಗೆ ಇನ್ನಷ್ಟು ಉತ್ಸಾಹ, ಶಿಕ್ಷಣ ಮತ್ತು ಅವಕಾಶಗಳನ್ನು ಒದಗಿಸುವ ಮೂಲಕ ಅವರನ್ನು ಸಶಕ್ತಗೊಳಿಸೋಣ.
“ಮಹಿಳೆಯರ ಪ್ರಗತಿ – ರಾಷ್ಟ್ರದ ಪ್ರಗತಿ!”(ಲೇಖನ-ಡಾ. ವೆಂಕಟೇಶ ಬಾಬು ಎಸ್,ಸಹ ಪ್ರಾಧ್ಯಾಪಕರು, ದಾವಣಗೆರೆ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ದಾವಣಗೆರೆ| ‘ಸಿರಿಯಜ್ಜಿ ಸಂಕಥನ’ ಪುಸ್ತಕ ಲೋಕರ್ಪಣೆ : ಜಾನಪದರನ್ನು ಅನಕ್ಷರಸ್ಥರೆನ್ನುವುದು ತಪ್ಪು : ಸಾಹಿತಿ ಕೃಷ್ಣಮೂರ್ತಿ ಹನೂರು

ಸುದ್ದಿದಿನ,ದಾವಣಗೆರೆ:ಜನಪದರು ನಿಜವಾದ ಇತಿಹಾಸವನ್ನು ಸೂಕ್ಷ್ಮವಾಗಿ ವಿಶ್ಲೇಷಣೆ ಮಾಡಿದ್ದಾರೆ.‘ಒಡಲ ಕಿಚ್ಚಿಗೆ ಈ ಕಿಚ್ಚು ಕಿರಿದು’ ಎಂಬುದಾಗಿ ಸತಿ ಸಹಗಮನ ಪದ್ಧತಿಯನ್ನೂ ಸಿರಿಯಜ್ಜಿ ವಿರೋಧಿಸಿದ್ದಳು ಹಾಗಾಗಿ ಜಾನಪದರನ್ನು ನಾವು ಅಕ್ಷರ ಬಾರದವರು ಅನಕ್ಷಸ್ಥರು ಎಂಬುದಾಗಿ ಹೇಳುವುದು ತಪ್ಪು ಎಂದು ಹಿರಿಯ ವಿದ್ವಾಂಸರಾದ ಕೃಷ್ಣಮೂರ್ತಿ ಹನೂರು ವಿಷಾದವ್ಯಕ್ತಪಡಿಸಿದರು.
ನಗರದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಿರಿಯಜ್ಜಿ ಪ್ರತಿಷ್ಠಾನ, ಮಾನವ ಬಂಧುತ್ವ ವೇದಿಕೆ ಹಾಗೂ ಅಮಿತ ಪ್ರಕಾಶನದ ವತಿಯಿಂದ ಭಾನುವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಪ್ರಾಂಶುಪಾಲ ಎಂ.ಮಂಜಣ್ಣ ಅವರ ‘ಸಿರಿಯಜ್ಜಿ ಸಂಕಥನ’ ಪುಸ್ತಕ ಲೋಕರ್ಪಣೆ ಮಾಡಿ ಅವರು ಮಾತನಾಡಿದರು.
ಸಿರಿಯಜ್ಜಿ ಭೇಟಿ ಮಾಡಿ ಸುಮಾರು 50ವರ್ಷ ಆಯಿತು.ಬೆಳೆಗೆರೆ ಕೃಷ್ಣಶಾಸ್ತ್ರಿಗಳ ಜೊತೆಗೆ ಮೊದಲ ಬಾರಿಗೆ ಗುಡಿಸಲಿನ ಭೇಟಿ ಮಾಡಿದ್ದೆ. ಆಡಿನ ಹಾಲು ಕರೆದು ಜತೆಗೆ ಮುದ್ದೆ ಕೊಡುತ್ತಿದ್ದರು. ಅದು 76ರ ಈ ಇಳಿವಯಸ್ಸಿನಲ್ಲೂ ನನಗೆ ಶಕ್ತಿ ಕೊಟ್ಟಿದೆ. ಪಾಶ್ಚಾತ್ಯ ವಿದ್ವಾಂಸರು 1800 ಸಂದರ್ಭದಲ್ಲಿ ದೇಶದಲ್ಲಿ ಹುಡುಕಿ ಹೊತ್ತೊಯ್ಯುವ ಕೆಲಸ ಮಾಡಿದರು. ಇಲ್ಲಿನ ಸಂಸ್ಕೃತಿಯ ಬಗ್ಗೆ ಅವರಿಗೆ ಅಭಿಮಾನ ಇತ್ತು. ಬುಡಕಟ್ಟು ಹಟ್ಟಿಯ ಸಿರಿಯಜ್ಜಿ ದೊಡ್ಡ ವಿದ್ವಾಂಸರು. ಅರೆ ಬರ ಕನ್ನಡ ಓದಿ ಎಲ್ಲವೂ ಗೊತ್ತದೆ ಎನ್ನುತ್ತೇವೆ. ಆದರೆ, ಸಿರಿಯಜ್ಜಿ ತನ್ನ ಬೌದ್ಧಿಕ ಶಕ್ತಿಯನ್ನು ಏನೂ ಅಲ್ಲ ಎಂದು ಹೇಳುತ್ತಿದ್ದರು. ‘ಹತ್ತ ಮಕ್ಕಳ ಹೆತ್ತು ಕತ್ತಿಗೆ ಬಲಿಕೊಟ್ಟೆ’ ಎಂಬ ಮಾತು ದೊಡ್ಡದು. ಇದರಲ್ಲಿ ದೊಡ್ಡ ಸಂದೇಶ ಇತ್ತು ಎಂದು ಸ್ಮರಿಸಿದರು.
ಅವಳ ಹಾಡುಗಾರಿಕೆಯ ಕ್ರಮ ವಿಸ್ಮಯ ಮೂಡಿಸುತ್ತಿತ್ತು. ನೋವಿನ ವಾಕ್ಯದಲ್ಲಿ ಇರುವ ಅರ್ಥ ಬಹಳ ದೊಡ್ಡದು. ಚರಿತ್ರೆಯನ್ನು ನಾಲ್ಕು ಪದಗಳಲ್ಲಿ ವಿಶ್ಲೇಷಣೆ ಮಾಡಿದಳು. . 100ಕ್ಕೂ ಹೆಚ್ಚು ತ್ರಿಪದಿಯಲ್ಲಿ ಸಿರಿಯಜ್ಜಿ ಹಾಡಿದ್ದಾಳೆ. ಸಮಾಜಿಕ, ಐತಿಹಾಸಿಕ, ಸಂತೋಷದ ಸಂಗತಿ, ಮಳೆರಾಯನ ಕುರಿತು ಹಾಡು ಹೇಳಿದ್ದಾಳೆ. ಮದುವೆ ಸಂಭ್ರದ ಸಾವಿರಾರು ತ್ರಿಪದಿ ಅವಳಲ್ಲಿದ್ದವು.ಶಿಷ್ಟ ಮತ್ತು ಜಾನಪದ ಸಾಹಿತ್ಯ ಈ ಎರಡರಲ್ಲೂ ಕೆಟ್ಟದ್ದು ಒಳ್ಳೆಯದು ಇದೆ. ಇದರ ಬಗೆಗೆ ಇನ್ನೂಹೆಚ್ಚಿನ ಅಧ್ಯಯನ ನಡೆಸಿ ಪ್ರಾಧ್ಯಾಪಕರು ಚರ್ಚಿಸಬೇಕಿದೆ. ಅವರ ಮೇಲೆ ದೊಡ್ಡ ಜವಾಬ್ದಾರಿ ಇದೆ ಎಂದರು.
ಅನಕ್ಷರಸ್ಥರಲ್ಲಿ ಕೂಡ ವಿದ್ವಾಂಸರು ಇದ್ದಾರೆ. ಸಿರಿಯಜ್ಜಿ ರೀತಿಯವರು ಅಸಂಖ್ಯಾತರಷ್ಟು ಇದ್ದಾರೆ. ಅಭಿವೃದ್ಧಿ ಹೆಸರಿನಲ್ಲಿ ನಡೆಯುತ್ತಿರುವ ಕಾಮಗಾರಿ ಮಾನವನನ್ನೇ ನಾಶ ಮಾಡುತ್ತಿದೆ. ಜನಪದರ, ಗ್ರಾಮೀಣ ಪ್ರದೇಶದ ಒಳಿತನ್ನು ಸ್ವೀಕರಿಸುವ ಮನೋಭಾವ ಉಳಿಸಿಕೊಳ್ಳೋಣ’.ಎ.ಕೆ.ರಾಮಾನುಜನ್, ಎಸ್.ಎಲ್.ಭೈರಪ್ಪ, ಗುಂಡೂರಾವ್, ಎಚ್.ಕೆ.ರಂಗನಾಥ್ ಸೇರಿ ಅನೇಕರು ಸಿರಿಯಜ್ಜಿ ಹುಡುಕಿಕೊಂಡು ಬಂದಿದ್ದರು. ಪ್ರಾಧ್ಯಾಪಕರು ಇದನ್ನು ಗುರುತಿಸಿ ಹೇಳಬೇಕು. ಮಕ್ಕಳಿಗೆ ಪಾಠ ಮಾಡಿದರೆ ಪ್ರಾಧ್ಯಾಪಕರ ಕಾರ್ಯ ಮುಗಿಯುದಿಲ್ಲ ಎಂದು ಕಿವಿಮಾತು ಹೇಳಿದರು.
ಅನಕ್ಷರಸ್ಥರು ಎಂದು ಹೇಳುವುದು ನಮ್ಮ ಅಜ್ಞಾನ ತೋರಿಸುತ್ತದೆ. ವಿಶ್ವವಿದ್ಯಾಲಯದ್ದು ಸೀಮಿತ ಪಠ್ಯ, ಜಾನಪದದ್ದು ಅಲಿಖಿತ ಸಂವಿಧಾನ, ಅಪರಿಮಿತ ಪಠ್ಯ ಇದು ಕೂಡ ಮುಖ್ಯ.‘ಸಾವಿರದ ಸಿರಿ ಬೆಳಕು’ ಹಂಪಿ ವಿಶ್ವವಿದ್ಯಾಲಯ ಹೊರತಂದಿದೆ. ಅಪ್ರಕಟಿತ ಗೀತೆಗಳು ಇನ್ನೂ ಇವೆ. ಅಕ್ಷರಕ್ಕೆ ಅಳಿವಿಲ್ಲ. ದೇಶದ ಉತ್ತಮ ಸಂಗತಿ, ಪಳಯುಳಿಕೆ ಅಮೆರಿಕಾ, ಇಂಗ್ಲೆಂಡ್ ನಲ್ಲಿವೆ.ಎಚ್ಚರಿಕೆ, ಗಮನ ಹರಿಸಬೇಕು ಪ್ರಾಧ್ಯಾಪಕರು. ಮಕ್ಕಳ ಆಸ್ತಿ ಯಾವುದು ಎಂಬುದನ್ನು ನಾವು ಮನವರಿಕೆ ಮಾಡಿಕೊಡಬೇಕಿದೆ ಎಂದು ಹಂಪಿ ವಿಶ್ವವಿದ್ಯಾಲಯ ಸಿಂಡಿಕೇಟ್ ಸದಸ್ಯ ಎಸ್.ಎಂ.ಮುತ್ತಯ್ಯ ಅಭಿಪ್ರಾಯಪಟ್ಟರು.
ಮನುಷ್ಯರೆಂಬಂತೆ ಸಮಾಜ ಕಾಣದ ಸಮುದಾಯದ ಮಹಿಳೆ ಬಗ್ಗೆ ನಡೆಸಿದ ಅಧ್ಯಯನಕ್ಕೆ ವಿಶ್ವವಿದ್ಯಾಲಯ ಪಿಎಚ್.ಡಿ ಪದವಿ ನೀಡಿದೆ. ಚಿಕ್ಕ ಸಂಗತಿಗೂ ನಿರ್ಬಂಧ ಹೇರುವ ಸಮುದಾಯದಲ್ಲಿ ದೊಡ್ಡ ಕಲಾವಿದೆಯೊಬ್ಬರೂ ಹೊರಹೊಮ್ಮಿದ ರೀತಿ ವಿಸ್ಮಯ ಮೂಡಿಸುತ್ತದೆ.ಸಿರಿಯಜ್ಜಿ ಸೃಷ್ಟಿಸಿದ್ದು ಸಾಹಿತ್ಯ ಅಲ್ಲ. ಇದು ಸಮುದಾಯಕ್ಕೆ ಪರಂಪರಾಗತವಾಗಿ ಬಂದದ್ದು. ಇದು ಕಾಡುಗೊಲ್ಲ ಮಾತ್ರವಲ್ಲ ಪಶುಪಾಲನಾ ಸಮುದಾಯದ ಅಸ್ಮಿತೆ ಕೂಡ ಹೌದು. ಕಾಡಲ್ಲಿ ಕುರಿ, ಜಾನುವಾರು ಕಾಯುತ್ತ ಬದುಕುತ್ತಿದ್ದ ಸಮುದಾಯದ ಕಲೆಗಳಿಗೆ ಮಾನ್ಯತೆ ಸಿಕ್ಕಿರಲಿಲ್ಲ. ಸಾಹಿತ್ಯ ಪರಂಪರೆಯಲ್ಲಿ ಜಾನಪದಕ್ಕೆ ಮಾನ್ಯತೆ ಸಿಕ್ಕಿದ್ದು ಜಿ.ಶಂ.ಪರಮಶಿವಯ್ಯ ಹಾಗೂ ಹಾ.ಮಾ.ನಾಯಕ ಸಾಕಷ್ಟು ಕಷ್ಟಪಟ್ಟಿದ್ದಾರೆ. ಜಾನಪದ ಸಾಹಿತ್ಯ ಕೂಡ ಸಂಶೋಧನೆಗೆ ಯೋಗ್ಯ ಕ್ಷೇತ್ರ ಮತ್ತು ವಸ್ತು ಎಂಬುದನ್ನು ಒಪ್ಪಿಸಲು ಸಾಕಷ್ಟು ಶ್ರಮಿಸಬೇಕಾಯಿತು ಎಂದು ಮೆಲುಕುಹಾಕಿದರು.
ಜಾನಪದ ಅಧ್ಯಯನ ವಿಸ್ತರಣೆ ಕಂಡ, ಮುಖ್ಯ ವಾಹಿನಿಯಲ್ಲಿ ಸ್ಥಾನ ಪಡೆದುಕೊಂಡ ಮೂರನೇ ಘಟ್ಟವಾಗಿ ಈ ಕೃತಿ ನೋಡಬೇಕು. ಶೈಕ್ಷಣಿಕ ಅಧ್ಯಯನದ ವಸ್ತವಾಗಿ ಸಿರಿಯಜ್ಜಿ ಪರಿಣಿಸಿ ಸಂಶೋಧನೆಗೆ ಒಳಪಡಿಸಿದ್ದಕ್ಕೆ ಹೆಮ್ಮೆ ಪಡಬೇಕು. ಜಾನಪದ ಅಧ್ಯಯನದ ಇತಿಹಾಸದಲ್ಲಿ ಹೊಸದೊಂದು ಪರ್ವ ಶುರು ಆಗಿದೆ.ಕಾಡು ಗೊಲ್ಲರಂತಹ ನಿರ್ಬಂಧಿತ ಸಮುದಾಯದ ಮಹಿಳೆಯೊಬ್ಬರು ಇಷ್ಟು ಎತ್ತರಕ್ಕೆ ಬೆಳೆಯುವ ಅವಕಾಶ ಸಿಕ್ಕಿದ್ದು ವಿಸ್ಮಯ. ಅವರ ಒಳಗಿನ ಆಸಕ್ತಿ, ಪ್ರಯತ್ನ ಹಾಗೂ ಕುಟುಂಬದ ಬೆಂಬಲದ ಕಾರಣಕ್ಕೆ ಅವಳಿಗೆ ಇದು ಸಾಧ್ಯ ಆಯಿತು. ಕಾಡಗೊಲ್ಲರ, ಸಾಂಸ್ಕೃತಿಕ ವೀರರ ಆರಾಧ್ಯ ದೈವ, ಬೇರೆ ಸಮುದಾಯದ ದೈವಗಳ ಬಗ್ಗೆ ಸಿರಿಯಜ್ಜಿ ಹಾಡಿದ್ದಾರೆ. ಹಾಡುವ ಸಾಹಿತ್ಯದಲ್ಲಿ ಭೇದ ಮಾಡಿಲ್ಲ. ಸಾಹಿತ್ಯದ ಪದ-ಪದದ ವಿವರಗಳನ್ನು ಅವಳು ನೀಡುತ್ತಿದ್ದಳು. ಕಾವ್ಯ ಅವಳ ಬದುಕಿನ ಭಾಗ ಆಗಿತ್ತು. ಹೀಗಾಗಿ ಅವಳು ನಿರರ್ಗಳವಾಗಿ ಹಾಡುತ್ತದ್ದಳು. ಆದರೆ, ಒಬ್ಬ ವ್ಯಕ್ತಿ ಇಷ್ಟು ಪದಗಳನ್ನು ನೆನಪಿನಲ್ಲಿ ಇಟ್ಟುಕೊಳ್ಳಲು ಸಾಧ್ಯವೇ ಎಂಬ ಪ್ರಶ್ನೆ ಮೂಡುತ್ತದೆ ಎಂದರು.
ಮಾನವ ಬಂಧುತ್ವ ವೇದಿಕೆಯ ರಾಜ್ಯ ಸಂಚಾಲಕ ಎ.ಬಿ.ರಾಮಚಂದ್ರಪ್ಪ, ಜಾನಪದ ಅಕಾಡೆಮಿ ಸದಸ್ಯ ಮಲ್ಲಿಕಾರ್ಜುನ್ ಕಲಮರಹಳ್ಳಿ, ಸಿರಿಯಜ್ಜಿ ಪ್ರತಿಷ್ಠಾನದ ಅಧ್ಯಕ್ಷ ರಾಜಶೇಖರ, ಕಲಾವಿದೆ ಸಿರಿಯಮ್ಮ, ಜಿ.ಕೆ.ಪ್ರೇಮಾ, ಅಮಿತ ಪ್ರಕಾಶನದ ಶಾರದಮ್ಮ ಹಾಜರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days ago
ಯುನೆಸ್ಕೋ ವಿಶ್ವ ಪಾರಂಪರಿಕ ತಾಣಗಳ ತಾತ್ಕಾಲಿಕ ಪಟ್ಟಿಗೆ ರಾಜ್ಯದ ಶಿಲಾ ಶಾಸನಗಳು ಸೇರ್ಪಡೆ
-
ದಿನದ ಸುದ್ದಿ6 days ago
ಕೆರೆಬಿಳಚಿ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ; 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
-
ದಿನದ ಸುದ್ದಿ6 days ago
ಮಾಸಾಶನ ಪಡೆಯುತ್ತಿರುವ ಕಲಾವಿದರು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಲು ಸೂಚನೆ
-
ದಿನದ ಸುದ್ದಿ5 days ago
ಕ್ಯೂ-ಸ್ಪೈಡರ್ಸ್ ವತಿಯಿಂದ ಉಚಿತ ಉದ್ಯೋಗದರಿತ ಕೌಶಲ್ಯ ತರಬೇತಿ ಆಯ್ಕೆ ಪ್ರಕ್ರಿಯೆ
-
ದಿನದ ಸುದ್ದಿ6 days ago
ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆ : ಹೊಸ ಸದಸ್ಯರ ನೊಂದಣಿ, ನೊಂದಣಿಯಾದ ಸದಸ್ಯರನ್ನು ನವೀಕರಿಸಲು ಸೂಚನೆ
-
ದಿನದ ಸುದ್ದಿ6 days ago
ಪ್ರತ್ಯೇಕ ದಾವಣಗೆರೆ-ಚಿತ್ರದುರ್ಗ ಮೆಗಾ ಡೈರಿ ಆರಂಭಿಸಿ : ಶಾಸಕ ಕೆ.ಎಸ್.ಬಸವಂತಪ್ಪ ಒತ್ತಾಯ
-
ಅಂಕಣ5 days ago
ಸಿದ್ಧಾಂತ ಮತ್ತು ಪತ್ರಿಕೋದ್ಯಮ
-
ದಿನದ ಸುದ್ದಿ5 days ago
ದಾವಣಗೆರೆ | ನಾಳೆಯಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆ ಆರಂಭ, 81 ಕೇಂದ್ರಗಳಲ್ಲಿ 22579 ವಿದ್ಯಾರ್ಥಿಗಳು