Connect with us

ಅಂತರಂಗ

ಅರಿಮೆಯ ಅರಿವಿರಲಿ-15 : ಅಹಂ ಬ್ರಹ್ಮಾಸ್ಮಿ

Published

on

  • ಯೋಗೇಶ್ ಮಾಸ್ಟರ್

“ತನಗೇ ಎಲ್ಲಾ ಗೊತ್ತು. ನಾನು ಹೇಳುವುದೆಲ್ಲಾ ಸರಿಯೇ ಇರುತ್ತದೆ. ನನಗೆ ಯಾರ ನಿರ್ದೇಶನವೂ ಬೇಡ. ನನ್ನ ನಿರ್ದೇಶನದಲ್ಲಿ ಎಲ್ಲವೂ ಆಗಬೇಕು. ನಾನು ಹೇಳಿದಷ್ಟು ಮಾತ್ರ ಕೇಳಿ. ನನಗೇನೂ ಹೇಳಲು ಬರಬೇಡಿ” ಎಂದು ತಾನೊಬ್ಬ ಸರ್ವಶಕ್ತ ಭಗವಂತನಂತೆ ವರ್ತಿಸುವವರನ್ನು ನಿಮ್ಮ ಬದುಕಿನ ಎಲ್ಲಾ ರಂಗಗಳಲ್ಲೂ ಒಂದಲ್ಲಾ ಒಂದು ಕಡೆ ನೋಡಿ ಇರುತ್ತೀರಿ. ಇದೂ ಆತ್ಮರತಿಯದೇ ಅರಿಮೆ. ಆದರೆ ಅದಕ್ಕಿಂತ ಒಂದು ಕೈ ಮೇಲು. ಇದಕ್ಕೆ God Complex ಅಥವಾ ದೈವಿಕ ಅರಿಮೆ ಎಂದು ಗುರುತಿಸುತ್ತಾರೆ.

ಈ ಅರಿಮೆಯಲ್ಲಿ ವ್ಯಕ್ತಿ ತಾನೊಬ್ಬ ದೈವೀಪುರುಷನೆಂದು ಭಾವಿಸುವುದಷ್ಟೇ ಅಲ್ಲದೇ ದೇವರಿಗಿದ್ದಂತೆ ತನಗೆ ಶಕ್ತಿಸಾಮರ್ಥ್ಯಗಳೂ ಇವೆ ಎಂದು ಭ್ರಮಿಸುವುದು ಎಂದೇನೂ ಇಲ್ಲ. ತಾನು ಯಾರಿಗೂ ಉತ್ತರಿಸಬೇಕಾಗಿಲ್ಲ ಎಂಬ ಧೋರಣೆಯನ್ನು ಹೊಂದಿರುವನು. ಆದರೆ ನಮ್ಮ ದೇಶದಲ್ಲಿ ನಾನೇ ಭಗವಂತ ಎಂದು ನೇರವಾಗಿ ಸಾರಿಕೊಳ್ಳುವ ದೇವ ಮಾನವರನ್ನು ಕಂಡಿದ್ದೇವೆ.

ತಾವು ದೈವೀ ಪುರುಷರೆಂದು ಹೇಳಿಕೊಂಡು ಆಧ್ಯಾತ್ಮ ಪುರುಷರು ತೋರುವ ವರ್ತನೆಗಳಿಂದ ಆಸ್ತಿಕರಿಗೆ ಭಕ್ತಿ ಬರಬಹುದು, ಆದರೆ ನಾಸ್ತಿಕರಿಗೆ ನಗು ಬರುತ್ತದೆ. ಆದರೆ ಇವುಗಳನ್ನು ಮೀರಿ ಮನೋವೈದ್ಯರಿಗೆ ಇವರ ದೈವಿಕ ಅರಿಮೆ ಒಂದು ಅಧ್ಯಯನದ ವಿಷಯ. ಇದಿರುವವರು ಒಬ್ಬ ಮನೋರೋಗಿ ಅಷ್ಟೇ.

ದೇವರಾಗಲು ನೂರು ದಾರಿ

ಧಾರ್ಮಿಕ ಮತ್ತು ಅಧ್ಯಾತ್ಮಿಕ ವ್ಯಕ್ತಿಗಳು ಮಾತ್ರ ಈ ಬಗೆಯ ದೈವಿಕ ಅರಿಮೆಯನ್ನು ಹೊಂದಿರುತ್ತಾರೆಂದುಕೊಳ್ಳಬೇಡಿ. ಈ ಅರಿಮೆ ನಾನಾ ರೀತಿಗಳಿಂದ ಬೆಳೆಯುತ್ತಾ ಹೋಗುತ್ತದೆ.ಯಾವುದೋ ಒಂದು ಕ್ಷೇತ್ರದಲ್ಲಿ ಮಹತ್ತರ ಸಾಧನೆಯನ್ನು ಮಾಡಿರುವವರು ಬಹು ಬೇಗ ಇಂಥಾ ಭ್ರಮೆಗೆ ಒಳಗಾಗಿರುವುದರ ಉದಾಹರಣೆ ಸಾಕಷ್ಟು ನಮ್ಮ ಕಣ್ಣ ಮುಂದಿವೆ.

ಸಂಗೀತದಲ್ಲಾಗಿರಬಹುದು, ವೈದ್ಯಕೀಯ ಕ್ಷೇತ್ರದಲ್ಲಾಗಿರಬಹುದು, ರಾಜಕೀಯದಲ್ಲಾಗಿರಬಹುದು, ಸಾಹಿತ್ಯದಲ್ಲಾಗಿರಬಹುದು; ಅತ್ಯುನ್ನತ ಗೌರವಗಳನ್ನು ಪಡೆಯುತ್ತಿದ್ದು, ಅವರ ಕೀರ್ತಿ ಮತ್ತು ಸಾಮಾಜಿಕ ಸ್ಥಾನಮಾನದ ದೆಸೆಯಿಂದ ಅವರನ್ನು ಕಂಡವರಾರು ಸಹಜವಾಗಿ ಕಡೆಗಣಿಸುವುದಿಲ್ಲ. ಅವರು ಯಾರಿಗಾದರೂ ನಿರ್ದೇಶನಗಳನ್ನು ನೀಡಿದರೆ “ಇಂಥಾ ದೊಡ್ಡ ಮನುಷ್ಯರು ಕೇಳಿದ್ದಾರೆ” ಎಂದು ಗೌರವದಿಂದ ಅನುಸರಿಸುತ್ತಾರೆ.

ಆದರೆ ಮೇಲಿಂದ ಮೇಲೆ ಆಗುವ ಇಂತಹ ಅನುಭವಗಳಿಂದ ಅಥವಾ ತಾವೇ ತಮ್ಮ ಬಗ್ಗೆ ಹೊಂದುವ ಚಿತ್ರಣದಿಂದ ದೈವಿಕ ಅರಿಮೆಗೆ ಒಳಗಾಗುತ್ತಾರೆ. ಅವರಿಗಿಂತ ಮೇಲಾಗಿ ಯಾರಾದರೂ ವರ್ತಿಸಿದರೆ ಅವರಿಗೆ ಆಗುವುದಿಲ್ಲ. ಜೀಯಾ, ಸ್ವಾಮಿ ಎಂದು ಯಾರೇ ಅಂಗಲಾಚಿದರೂ ಅವರಿಗೆ ಅಭಯ ಹಸ್ತವನ್ನು ತೋರುತ್ತಾರೆ. ನಾನು ನಿನ್ನ ಕಾಪಾಡುತ್ತೇನೆ ಎಂಬ ವರದಾನದ ಭರವಸೆ ನೀಡುತ್ತಾರೆ.

ಎಷ್ಟರ ಮಟ್ಟಿಗೆ ಅವರನ್ನು ಅದು ಕಾಡುತ್ತದೆ ಎಂದರೆ ಎಷ್ಟೋ ಬಾರಿ ಅವರು ಪರಸ್ಪರ ಗೌರವ ಸೂಚಕ ನಮಸ್ಕಾರ ಕೂಡಾ ಅವರು ಮಾಡುವುದಿಲ್ಲ. ಇತರರ ನಮಸ್ಕಾರವನ್ನು ಮಾತ್ರ ಸ್ವೀಕರಿಸುತ್ತಾರೆ. ನಮ್ಮ ಭಾರತದಲ್ಲಿ ಇಂತಹ ದೈವಿಕ ಅರಿಮೆಯನ್ನು ಹೊಂದಿರುವಂತಹ ಹಲವಾರು ಗಣ್ಯರು ನಮಗೆ ಕಾಣಬರುತ್ತಾರೆ.

ನಾನೇ ಭಗವಂತ

ಈಗ್ಗೆ ಕೆಲವು ವರ್ಷಗಳ ಹಿಂದೆ ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕರೊಬ್ಬರು ಧ್ಯಾನ, ಆಧ್ಯಾತ್ಮಿಕ ಸಾಧನೆ ಇತ್ಯಾದಿಗಳನ್ನು ಬಹಳ ಗಂಭೀರವಾಗಿ ಮಾಡುತ್ತಿದ್ದರು. ಅಹಂ ಬ್ರಹ್ಮಾಸ್ಮಿಯ ಅರಿಮೆಯು ಅದೆಷ್ಟರ ಮಟ್ಟಿಗೆ ಮನಸ್ಸಿನ ಆಳಕ್ಕಿಳಿದಿತೆಂದರೆ, ನೆಲದ ಜೊತೆಗೆ ಸಂಪರ್ಕ ನಿಲ್ಲಿಸಿದರು. ಅಂದರೆ ಬರಿಗಾಲಿನಲ್ಲಿ ನೆಲದ ಮೇಲೆ ನಡೆಯುತ್ತಿರಲಿಲ್ಲ. ಅವರು ಹೊರಗಿನ ಜನರನ್ನು ಸಂದರ್ಶಿಸುವುದನ್ನು ನಿಲ್ಲಿಸಿದರು. ಯಾರಿಗೂ ಕೈ ಕುಲುಕುತ್ತಿರಲಿಲ್ಲ. ತಮ್ಮ ಶಕ್ತಿಯ ಪತನವಾಗುತ್ತದೆ ಎಂದು ಭಾವಿಸಿ ಬಹುತೇಕ ಮಾನಸಿಕ ರೋಗಿಯಂತಾಗಿದ್ದರು. ನಂತರ ಅವರ ಆಪ್ತರ ಸಮಾಲೋಚನೆ ಮತ್ತು ಮುನ್ನೆಚ್ಚರಿಕೆಯಿಂದ ಅವರ ಅರಿವಿಗೂ ತಮ್ಮ ವಿಷಯ ನಿಲುಕಿತು ಮತ್ತು ಮುಂದೆ ಗುಣಮುಖರೂ ಆಗಿ ತಮ್ಮ ಸಂಗೀತ ಸಾಧನೆ ಮುಂದುವರಿಸಿದರು.

ಗಣ್ಯರಿರಲಿ, ಕೆಲವರು ಸಾಮಾಜಿಕ ಜೀವನದಲ್ಲಿ ಅದೆಷ್ಟೇ ನಗಣ್ಯರಾಗಿದ್ದರೂ, ಈ ಬಗೆಯ ಅರಿಮೆಯನ್ನು ಹೊಂದಿದ್ದು ಕಂಡವರ ಪಾಲಿಗೆ ನಗೆಪಾಟಲಾಗುತ್ತಾರೆ. ಜನಸಾಮಾನ್ಯರಿಗೆಂದು ಇರುವ ಸಾಮಾನ್ಯ ನಿಯಮಗಳು ಅಥವಾ ರೀತಿನೀತಿಗಳು ತಮಗೆ ಅನ್ವಯವಾಗುವುದಿಲ್ಲ ಎಂದು ಭಾವಿಸುತ್ತಾರೆ. “ಇದು ಒನ್ ವೇ. ಹೋಗುವುದು ಬೇಡ” ಎಂದರೆ, “ನನಗ್ಯಾವ ಒನ್ ವೇ?” ಎಂದು ಎದೆಯುಬ್ಬಿಸಿ ನಗುತ್ತಾರೆ. ಮೇಲರಿಮೆಯ ತುತ್ತತುದಿಯ ಭಾಗವಿದು. ಅವರು ತಮಗೊಂದು ವರ್ಚಸ್ಸಿದೆ ಎಂದು ಭಾವಿಸುತ್ತಾರೆ.

ಗಾಢ ಮತ್ತು ಆಳವಾದ ಪ್ರಭಾವವನ್ನು ಬೀರುವಂತಹ ಧ್ವನಿ ಇದೆ ಎಂದುಕೊಂಡು ಅದೇ ರೀತಿ ಘನ ಗಂಭೀರದಿಂದ ಮಾತಾಡುತ್ತಾರೆ. ತಮ್ಮಿಂದ ಆಗದೇ ಇರುವಂತಹ ಕೆಲಸವೇ ಇಲ್ಲ ಎಂಬಂತೆ ಆಶ್ವಾಸನೆಗಳನ್ನು ನೀಡುತ್ತಾರೆ. ತಮಗಿಂತ ವಯಸ್ಸಿನಲ್ಲಿ, ಸಾಧನೆಯಲ್ಲಿ ದೊಡ್ಡವರನ್ನು ಕಂಡರೂ ತಮಗಿರುವ ವಿಶೇಷ ದೈವಿಕ ಸಾಮರ್ಥ್ಯ ಮತ್ತು ಅಸ್ತಿತ್ವದ ಮುಂದೆ ಅದೆಲ್ಲವೂ ಕ್ಷುಲ್ಲಕವೆಂದೇ ಅವರ ಭಾವನೆಯಾಗಿರುತ್ತದೆ.

ಅವರನ್ನು ಇತರರು ಸರಿಪಡಿಸುವುದು ಬಹಳ ಕಷ್ಟ. ಅವರಿಗೇ ತಮಗೆ ಈ ಬಗೆಯ ಅರಿಮೆ ಇದೆ ಎಂದು ಅರ್ಥವಾಗಬೇಕು. ತಾನು ವರ್ತಿಸುವ ಸಮಯದಲ್ಲೆಲ್ಲಾ ಎಚ್ಚರಗೊಳ್ಳಬೇಕು. ಹಾಗೆ ವರ್ತಿಸದೇ ಸಹಜವಾಗಿ ವರ್ತಿಸುವಂತಹ ಅಭ್ಯಾಸವನ್ನು ಮಾಡಬೇಕು. ಸತತವಾದ ಅಭ್ಯಾಸ ಮಾಡುತ್ತಿದ್ದರೆ ದೈವಿಕ ಅರಿಮೆಯಿಂದ ಹೊರಬರಲು ಸಾಧ್ಯ.

ಸೃಷ್ಟಿಕರ್ತ

ಸಾಮಾನ್ಯವಾಗಿ ಈ ದೈವಿಕ ಅರಿಮೆಯು ಬದುಕಿನ ಎಲ್ಲಾ ರಂಗಗಳಲ್ಲಿದ್ದರೂ ಸೃಜನಶೀಲ ವ್ಯಕ್ತಿಗಳಲ್ಲಿ ಹೆಚ್ಚಾಗಿ ಕಾಣುತ್ತದೆ. ಇದಕ್ಕೆ ಬಹುಶಃ ದೇವರು ಎಂಬ ಸೃಷ್ಟಿಕರ್ತನ ಪರಿಕಲ್ಪನೆ ಮನಸ್ಸಿನಲ್ಲಿ ಆಳವಾಗಿ ಬೇರೂರಿದ್ದು, ತಾವೂ ಕಲೆ, ಸಾಹಿತ್ಯ ಇತ್ಯಾದಿಗಳಲ್ಲಿ ಸೃಷ್ಟಿಸುವ ಕೆಲಸದಲ್ಲಿ ನಿರತರಾಗಿರುವುದರಿಂದ ಈ ಅರಿಮೆ ನಿಧಾನವಾಗಿ ತಲೆದೋರಬಹುದು.

ಮಗುವೊಂದು ಅದೂ ಇದೂ ಜೋಡಿಸಿಕೊಂಡು ಆಟವಾಡುವುದನ್ನು ಗಮನಿಸಿ. ಅದಕ್ಕೆ ಹೊರಗಿನ ಲೋಕದ ಪರಿವೆಯೇ ಇರುವುದಿಲ್ಲ. ಅದಕ್ಕೆ ನಿರ್ಧಿಷ್ಟವಾಗಿ ಏನು ರಚಿಸುತ್ತಿದ್ದೇನೆ ಎಂದು ಸರಿಯಾಗಿ ತಿಳಿಯದಿದ್ದರೂ ಏನನ್ನೋ ಸೃಷ್ಟಿಸುವ ಕ್ರಿಯೆಯಲ್ಲಿ ಮೈಮರೆತಿರುತ್ತದೆ. ಅದೇ ರೀತಿ ಸೃಜನಶೀಲ ವ್ಯಕ್ತಿಗಳೂ ಕೂಡಾ ಸೃಷ್ಟಿಯಕಾರ್ಯದಲ್ಲಿ ನಿರತರಾಗಿರುವಾಗ ಹೊರ ಜಗತ್ತಿನ ಪರಿವೆಯನ್ನು ಹೊಂದಿರುವುದಿಲ್ಲ. ಹಾಗಾಗಿ ಕೆಲವು ಕಲಾವಿದರ ವರ್ತನೆಯು ವಿಲಕ್ಷಣ ಎಂದೂ ಅನ್ನಿಸಬಹುದು. ಅವರಿಗೆ ಯಾರೂ ಸರಿಪಡಿಸಲು ಹೋಗಲಾಗದು.

ಏಕೆಂದರೆ ಅವರು ಕುಟುಂಬದ ಬಂಧವನ್ನು, ಸಂಬಂಧಗಳನ್ನೂ ಕೂಡಾ ಕಳೆದುಕೊಳ್ಳಲು ಸಿದ್ಧರಾಗಿರುವರು. ವಾಸ್ತವವಾಗಿ ಅವರಿಗೆ ಅವೆಲ್ಲವೂ ಅವರ ಸೃಷ್ಟಿಕಾರ್ಯದಲ್ಲಿ ಅಡಚಣೆಗಳೆಂದೇ ಅನ್ನಿಸುವುದು. ಅವರ ಸಂಬಂಧ ಮತ್ತು ಅದರ ಸುತ್ತಲಿನ ಚಟುವಟಿಕೆಗಳು ಕಲಾವಿದರಿಗೆ ಬಂಧನ ಎನ್ನಿಸುವುದು. ಬಹಳಷ್ಟು ಕಲಾವಿದರ ವೈವಾಹಿಕ ಸಂಬಂಧಗಳೂ ಕೂಡಾ ಮುರಿದುಬೀಳುವುದು ಏನೂ ಆಶ್ಚರ್ಯವಿಲ್ಲ. ದೈವಿಕದರಿಮೆಯ ವ್ಯಕ್ತಿಗಳಿಗೆ ದಾಂಪತ್ಯ ಜೀವನ ಕಷ್ಟಸಾಧ್ಯ.

ತಾವು ಇಂತಹುದ್ದೊಂದರ ಅರಿಮೆಯಲ್ಲಿ ಇದ್ದೇವೆ ಎಂದು ತಿಳಿದರೆ ಅವರು ಇದರಿಂದ ಹೊರಗೆ ಬರುವ ಪ್ರಯತ್ನ ಮಾಡಬಲ್ಲರು. ವಿಶ್ವದ ವಿರಾಟ್ ಸ್ವರೂಪದ ಮುಂದೆ ತಾವೊಂದು ಅಣುವಿನಲ್ಲಿ ಅಣುವೆಂಬ ಕುಬ್ಜತೆಯ ಅರಿವಾದರೆ ತನ್ನ ವಿರಾಟ್ ರೂಪವನ್ನು ಸಂಕುಚಿತಗೊಳಿಸಿಕೊಳ್ಳಬಹುದು.
ಎಂದರೋ ಮಹಾನುಭಾವುಲು ಆಗಿರು ಹೋಗಿರುವ ಚರಿತ್ರೆಯ ಪ್ರಜ್ಞೆ ಮತ್ತು ತಾವೆಷ್ಟು ಸಂಕುಚಿತ ವ್ಯಕ್ತಿ ಎಂಬ ಭಾವ ದೈವಿಕ ಅರಿಮೆಯನ್ನು ಕ್ರಮೇಣ ಇಲ್ಲವಾಗಿಸಬಹುದು.

ರೋಗ ಲಕ್ಷಣಗಳು

ದೈವಿಕ ಅರಿಮೆಯವರ ಇನ್ನೊಂದು ರೋಗಲಕ್ಷಣವೆಂದರೆ “ತನ್ನ ತೀರ್ಮಾನ ಮತ್ತು ಕಾರ್ಯವೈಖರಿಯೇ ಉಳಿದವರಿಗಿಂತ ಸರಿಯಾದದ್ದು ಮತ್ತು ಉತ್ತಮವಾದದ್ದು” ಎಂದು ಭಾವಿಸುವುದು. ಯಾವಾಗ ಇದೇ ಭಾವನೆಯು ಸತತವಾಗಿ ಬರುತ್ತಿದೆ ಎಂದೆನಿಸಿದಾಗ ಈ ಅರಿಮೆಯ ಲಕ್ಷಣಗಳು ನನ್ನಲ್ಲೂ ಇವೆ ಎಂಬ ಎಚ್ಚರಿಕೆ ಬರಬೇಕು. ಹಾಗೆಯೇ ಮುಕ್ತ ಮನಸ್ಸಿನಿಂದ, ತೆರೆದ ಹೃದಯದಿಂದ ಇತರರ ಸಲಹೆ, ಸೂಚನೆ ಮತ್ತು ನಿರ್ದೇಶನಗಳಿಗೆ ಕಿವಿಗೊಡಬೇಕು. ಉದ್ದೇಶಪೂರ್ವಕವಾಗಿ ತನ್ನದನ್ನು ಬದಿಗಿರಿಸಿ, ಇತರರದನ್ನು ಪರಿಗಣಿಸುವ ರೂಢಿಯನ್ನು ಮಾಡಿಕೊಂಡು ತನ್ನ ಅರಿಮೆಯ ಹುಟ್ಟಡಗಿಸಬೇಕು.

ಈ ದೈವಿಕ ಅರಿಮೆಯವರ ಮತ್ತೊಂದು ಢಾಳಾದ ಲಕ್ಷಣವೆಂದರೆ, “ನನ್ನ ಯಾರೂ ಅರ್ಥ ಮಾಡಿಕೊಳ್ಳುವುದಿಲ್ಲ” ಎಂದು ಗೊಣಗುತ್ತಿರುವುದು. ಸಮಸ್ಯೆ ಏನೆಂದರೆ ಇತರರನ್ನು ಅರ್ಥ ಮಾಡಿಕೊಳ್ಳುವ ಆಲೋಚನೆಯೇ ಇವರಿಗೆ ಹೊಳೆಯದಿರುವುದು. ಹೌದು, ನಾನು ಹೇಳುವುದು ಇವರಿಗೆ ಯಾಕೆ ಅರ್ಥವಾಗುತ್ತಿಲ್ಲ? ನಾನು ಸರಿಯಾಗಿ ಹೇಳುತ್ತಿಲ್ಲವೇ? ಎಂದು ತಮ್ಮನ್ನು ಪ್ರಶ್ನಿಸಿಕೊಳ್ಳುವುದಿಲ್ಲ. ಬದಲಾಗಿ ನಾನು ಹೇಳುವುದನ್ನು ಅರ್ಥ ಮಾಡಿಕೊಳ್ಳುವ ಸಾಮರ್ಥ್ಯ ಇವರಲ್ಲಿ ಇಲ್ಲ ಅಥವಾ ಇವರು ನಾನು ಹೇಳುವುದನ್ನು ಅರ್ಥ ಮಾಡಿಕೊಳ್ಳಲಾಗದಷ್ಟು ದಡ್ಡರು ಎಂದುಕೊಳ್ಳುತ್ತಾರೆ.

ಇವೆರಡೂ ಅನ್ನಿಸದಿದ್ದರೆ, ನಾನು ಹೇಳುವುದನ್ನು ಕೇಳದೇ ಇರುವಷ್ಟು ಉದ್ಧಟತನ ತೋರುತ್ತಿದ್ದಾರೆ ಇವರಿನ್ನು ಇಲ್ಲಿ ಇರಬಾರದು ಎಂಬ ತೀರ್ಮಾನಕ್ಕೆ ಬರುತ್ತಾರೆ. ಅವರ ಆಗಿನ ಮಾತೆಂದರೆ, “ಒಂದೋ ನೀನು ಇಲ್ಲಿರಬೇಕು ಅಥವಾ ನಾನಿಲ್ಲಿ ಇರಬೇಕು.” ಈ ಮಾತಿನ ಅರ್ಥ ನಾನು ಹೋಗುತ್ತೇನೆ ಎಂದಲ್ಲ. ಇದು ನನ್ನ ಸ್ಥಳ ನೀನು ಇಲ್ಲಿಂದ ಹೋಗಬೇಕು ಎಂದರ್ಥ. ಅಂದರೆ ಒಂದೋ ನೀನು ನನ್ನ ಆಜ್ಞಾನುವರ್ತಿಯಾಗಿ ಇರಬೇಕು. ಇಲ್ಲವೆಂದರೆ ಹೋಗುತ್ತಿರಬೇಕು. ಇದು ಅವರ ಅರಿಮೆಯ ಸ್ಪಷ್ಟತೆ.

ದೈವಿಕ ಅರಿಮೆಯವರು ಎಲ್ಲಾ ವಿಷಯಗಳಲ್ಲೂ ಮಾತಾಡಲು, ತಮ್ಮ ಅಭಿಪ್ರಾಯ ನೀಡಲು, ತಮಗೆ ಆ ವಿಷಯ ಗೊತ್ತಿದೆ ಎಂದು ತೋರ್ಪಡಿಸುತ್ತಿರುತ್ತಾರೆ. ದೇವರು ಸರ್ವಜ್ಞನಲ್ಲವೇ? ಅವರು ಸಾಮಾನ್ಯವಾಗಿ ಎಲ್ಲದರ ಬಗ್ಗೆ ತಿಳಿದುಕೊಳ್ಳಲೂ ಪ್ರಯತ್ನಿಸುತ್ತಿರುತ್ತಾರೆ. ಇದಕ್ಕಿರುವ ಪರಿಹಾರ ಒಂದೇ. ತನ್ನ ಸಾಮರ್ಥ್ಯ ಮತ್ತು ಮಿತಿಯನ್ನು ಅರಿತುಕೊಳ್ಳುವುದು. ತನಗೆ ಸಾಮರ್ಥ್ಯವಿರುವುದರಲ್ಲಿ ಆತ್ಮವಿಶ್ವಾಸದಿಂದ ಕೆಲಸ ಮಾಡುವುದು. ತನಗೆ ಮಿತಿಯಿರುವ ವಿಷಯದಲ್ಲಿ ವಿನಯವಾಗಿ ತಿಳಿಯುವ ಪ್ರಯತ್ನ ಮಾಡುವುದು. ಬಲ್ಲವರ ಬಳಿ ಅಹಂಕಾರ ತೋರದೇ, ಹುಸಿ ಜ್ಞಾನದ ಪ್ರದರ್ಶನ ಮಾಡದೇ ಗೊತ್ತಿಲ್ಲ, ನನಗೇನೂ ಗೊತ್ತಿಲ್ಲ ಎಂದು ಸ್ಪಷ್ಟಪಡಿಸುವ ರೂಢಿಯನ್ನು ಮಾಡಿಕೊಳ್ಳುವುದು.

ಯಾವಾಗಲೂ ಸ್ಪರ್ಧಾತ್ಮಕವಾಗಿಯೇ ಪ್ರತಿಯೊಂದು ವಿಷಯಗಳನ್ನೊ ತೆಗೆದುಕೊಳ್ಳುವುದು. ಸವಾಲುಗಳನ್ನು ಎಸೆಯುವುದು. ಇತರ ಸಾಧನೆಗಳನ್ನು ಸವಾಲುಗಳಂತೆ ಸ್ವೀಕರಿಸುವುದು. ನಾನು ಅತ್ಯುತ್ತಮವಾದ ಪ್ರದರ್ಶನವನ್ನು ಕೊಡಬೇಕು ಎಂದು ಆಲೋಚಿಸುವುದು ಆರೋಗ್ಯಕರ ಧೋರಣೆಯ ಲಕ್ಷಣ. ಆದರೆ, ನಾನೇ ಅತ್ಯುತ್ತಮವಾದ ಪ್ರದರ್ಶನವನ್ನು ನೀಡುವುದು. ಇನ್ನಾರೂ ಕೊಡುವುದಿಲ್ಲ ಅಥವಾ ಕೊಡಕೂಡದು ಎನ್ನುವುದು ಮನೋರೋಗದ ಲಕ್ಷಣ. ಇಂತಹ ಮನಸ್ಥಿತಿಯವರು ತಮ್ಮ ಎದುರಾಳಿಗಳನ್ನು ಬಗ್ಗುಬಡಿಯಲು ಏನೆಲ್ಲಾ ಮಾಡುತ್ತಾರೆ ಎಂಬ ಸಾಕಷ್ಟು ಉದಾಹರಣೆಗಳನ್ನು ನಮ್ಮ ಸಾಮಾನ್ಯ ಜೀವಿತಾವಧಿಯಲ್ಲೇ ಕಾಣುತ್ತಿರುತ್ತೇವೆ.

ಇತರರನ್ನು ಕಡೆಗಣಿಸುವುದು ಮತ್ತು ಅವರದೇನೂ ಅಂತಹ ಸತ್ವವಿಲ್ಲ ಎನ್ನುವುದು ಈ ಅರಿಮೆಯುಳ್ಳವರ ತೀರಾ ಸಾಮಾನ್ಯ ಲಕ್ಷಣ. ತಮ್ಮನ್ನು ಇತರರೊಂದಿಗೆ ಸದಾ ಹೋಲಿಸಿಕೊಳ್ಳುತ್ತಿರುತ್ತಾರೆ. ಅದನ್ನು ಹೊರಗೆ ತೋರ್ಪಡಿಸದಿದ್ದರೂ ತಮ್ಮೊಳಗೇ ಆ ಹೋಲಿಕೆಯ ಕೆಲಸ ಭರದಿಂದ ಸಾಗುತ್ತಲೇ ಇರುತ್ತದೆ. ತಾವು ಮಾಡಿದ ಕೆಲಸವನ್ನು ಯಾರೂ ವಿಮರ್ಶೆ ಮಾಡಬಾರದು ಮತ್ತು ಅದನ್ನು ಸರ್ವಶ್ರೇಷ್ಟವೆಂದು ಅವರು ಭಾವಿಸಿರುತ್ತಾರೆ. ಅವರು ಆ ವಿಷಯದಲ್ಲಿ ಎಡವಟ್ಟುಗಳನ್ನೇ ಮಾಡಿರಲಿ. ಅದನ್ನು ಅವರು ತೋರಿಸಿಕೊಳ್ಳುವುದಿಲ್ಲ.

ಇತರರ ಮಾತುಗಳನ್ನು ಕೇಳಿಸಿಕೊಳ್ಳುವುದಿಲ್ಲ.ಎದುರು ಇರುವವರ ಮಾತುಗಳನ್ನು ಕೇಳುವುದಕ್ಕಿಂತ ತಮ್ಮ ಮಾತುಗಳನ್ನು ಹೇಳುವ ಆತುರವೇ ಅವರಲ್ಲಿ ಹೆಚ್ಚಾಗಿದ್ದು, ಎಷ್ಟೋ ಬಾರಿ ಇತರರು ಹೇಳುವ ಮಾತುಗಳಲ್ಲಿ ವಾಕ್ಯವೊಂದು ಪೂರ್ಣವಾಗುವುದಕ್ಕೂ ಬಿಡದೇ ತಾವು ತಮ್ಮದನ್ನು ಹೇಳುತ್ತಿರುತ್ತಾರೆ. ತಾವು ತಮ್ಮ ಕತೆ, ಅನುಭವ, ವಿಚಾರ ಇತ್ಯಾದಿಗಳನ್ನೆಲ್ಲಾ ಇತರರಿಗೆ ಹೇಳುವಂತೆ ತಾವೂ ಇತರರದನ್ನು ಕೇಳುವ ಸಹನೆಯನ್ನೂ, ಔದಾರ್ಯವನ್ನೂ, ಹೋಗಲಿ ಕರುಣೆಯನ್ನೂ ತೋರುವುದಿಲ್ಲ.
ಇಂತಹ ಲಕ್ಷಣವು ಇದ್ದರೆ ಮೊದಲು ನಾವು ಅಭ್ಯಾಸ ಮಾಡಬೇಕಾಗಿರುವುದು ಮೌನ.

ನನ್ನ ಎದುರು ಇರುವವರು ಮಾತನಾಡಿದ ಮೇಲೆ ನಾನು ಮಾತಾಡುತ್ತೇನೆ ಎಂಬ ಸ್ಪಷ್ಟವಾದ ಸಂಕಲ್ಪದಿಂದ ಸಂವಹನಕ್ಕೆ ತೊಡಗಬೇಕು. ಒಂದು ವೇಳೆ ಎದುರಿಗೆ ಇರುವವರೂ ದೇವರೇ ಆಗಿದ್ದರೆ, ಸರಿ, ಹಾಳಾಗಿ ಹೋಗಲಿ ದೇವರು ದೇವರುಗಳ ನಡುವೆ ಯುದ್ಧವೇಕೆ ಎಂದು ಸುಮ್ಮನಾಗುವುದು ಅತ್ಯಂತ ಶ್ರೇಯಸ್ಕರ. ಎಂತೂ ಆ ದೇವರು ಈ ದೇವರ ಮಾತು ಕೇಳುವುದಿಲ್ಲ ಎಂಬ ಅರಿವಾಯಿತಲ್ಲಾ. ಈ ದೇವರು ಬಾಯಿಮುಚ್ಚಿಕೊಂಡು ತನ್ನ ಶಕ್ತಿವ್ಯಯ ಮಾಡದಿರುವಷ್ಟು ಜಾಣ ದೇವರಾಗಬೇಕು.

ಈ ದೇವರುಗಳಿಗೆ ಸಾಮಾನ್ಯವಾಗಿ ಒಳಗೊಳಗೆ ತಮ್ಮನ್ನು ಪ್ರಶಂಸಿಸುವುದಿಲ್ಲ, ತಮ್ಮನ್ನು ಪುರಸ್ಕರಿಸುವುದಿಲ್ಲ ಎಂಬ ಖೇದವು ಯಾವಾಗಲೂ ಕೊರೆಯುತ್ತಿರುವ ಕಾರಣದಿಂದ ಉಗ್ರವಾಗಿಯಾದರೂ ಪ್ರಶಂಸೆಯನ್ನು ಪಡೆಯಬೇಕೆಂದು ಎದುರಿರುವವರನ್ನು ಮಣಿಸುವ ಯತ್ನ ಮಾಡುತ್ತಿರುತ್ತಾರೆ. ಅಷ್ಟೇ ಅಲ್ಲದೆ ತಮ್ಮಿಂದ ಯಾವುದೇ ಲೋಪದೋಷವಾದರೂ ಅದನ್ನು ತಾವೇ ಸಮರ್ಥಿಸಿಕೊಂಡು ಅಥವಾ ಸಮಜಾಯಿಷಿ ನೀಡಿಕೊಂಡು ಅದೇನೂ ಅಂತಹ ಘನವಾದ ಲೋಪವೇನಲ್ಲ ಎಂಬ ನಿರ್ಧಾರಕ್ಕೆ ಬಂದುಬಿಡುತ್ತಾರೆ. ಸರಿ, ಈ ಅರಿಮೆ ಇದೆ ಎಂದು ಅರಿವಾಯಿತು. ಮುಂದೆ? ಅರಿಮೆ ಅಮಲೇರಿಸುವುದಾದರೆ ಅರಿವು ಅಮಲಿಳಿಸುವ ಸಾಧನವಷ್ಟೇ. ಅಮಲಿಲ್ಲದೇ ಅವಧಾನದಲ್ಲಿ ಅಡಿಗಳನ್ನಿಟ್ಟರಾಯಿತು.
ಇಂತೀ ದೈವಿಕ ಅರಿಮೆಯ ಪುರಾಣವು ಮುಕ್ತಾಯವಾದುದು.

(ಮುಂದುವರಿಯುವುದು)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ

ಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು

Published

on

~ ಯೋಗೇಶ್ ಮಾಸ್ಟರ್

ಮೆಟ್ಟಿಲುಗಳ ಮೇಲೆ ನಿಂತು ದಿಟ್ಟಿಸುತ್ತಿರುವವನ ನೋಡುಗರು ಏನೆಂದು ತಿಳಿದಾರು? ಹತ್ತುತ್ತಿರುವನೆಂದೋ, ಇಳಿಯುತ್ತಿರುವನೆಂದೋ? ಯಾರೇನಾದರೂ ಅಂದುಕೊಳ್ಳಲಿ ಹೊರಗೆ ಹತ್ತುತ್ತಿರುವವನು ಇಳಿಯುತ್ತಿರಬಹುದು. ಇಳಿಯುತ್ತಿರುವವನು ಹತ್ತುತ್ತಿರಬಹುದು.

ಈಗ ಯಾರೂ ನೋಡುತ್ತಿಲ್ಲ. ನಾನು ಹತ್ತುತ್ತಿರುವೆನೋ ಇಳಿಯುತ್ತಿರುವೆನೋ ಯಾರೂ ನೋಡುತ್ತಿಲ್ಲ. ಯಾರೊಬ್ಬರೂ ಇಲ್ಲದಿರುವಾಗಲೂ ನಾನು ನನಗೆ ಪ್ರಾಮಾಣಿಕವಾಗಿ ಇರದಿದ್ದರೆ? ‘ಆತ್ಮಾರಾಮ್, ಈಗೇನು ನೀನು ಏರುತ್ತೀಯೋ, ಇಳಿಯುತ್ತೀಯೋ?’ ಬೇರೊಬ್ಬರು ಕೇಳುವ ಪ್ರಶ್ನೆಗಳಿಗೆ ಉತ್ತರಿಸಿಬಿಡಬಹುದು. ನಾನೇ ಹಾಕಿಕೊಳ್ಳುವ ಪ್ರಶ್ನೆಗೆ ನಾನೇ ಉತ್ತರಿಸುವ ಧೈರ್ಯ ಅಷ್ಟು ಸುಲಭದಲ್ಲಿ ಬರುವುದಿಲ್ಲ.
ನೂರಾರು ಆಪ್ತ ಸಮಾಲೋಚನೆಗಳಲ್ಲಿ ಸಾವಿರಾರು ಪ್ರೊಜೆಕ್ಟಿವ್ ಪ್ರಶ್ನೆಗಳನ್ನು ಕೇಳಿದ್ದೇನೆ. ನನಗೆ ನಾನೇ ಪ್ರೊಜೆಕ್ಟ್ ಮಾಡುವ ಪ್ರಶ್ನೆಯನ್ನು ನಾನು ಹಾಕಿಕೊಳ್ಳಲು ಇದುವರೆಗೂ ಆಗಿಲ್ಲ.

ಇವತ್ತು ಹಾಕಿಕೊಂಡೆ. ಅದ್ಯಾಕೋ ಮೆಟ್ಟಿಲುಗಳು ನನ್ನ ಪ್ರಶ್ನಿಸಿದವು. ಹೇ ಆತ್ಮಾರಾಮ್, ಈಗೇನು? ನೀನು ಏರುತ್ತೀಯೋ? ಇಳಿಯುತ್ತೀಯೋ?’ ಏರಿದ್ದೇನೆಂದುಕೊAಡು ಇಳಿದಿರುವ ನಾನು ಹೇಗೆ ಉತ್ತರಿಸಲಿ? ಮೆಲ್ಲನೆ ಕುಳಿತುಬಿಟ್ಟೆ.
ಹೌದು, ಈ ಮೆಟ್ಟಿಲುಗಳು ಬರೀ ಏರಲಲ್ಲ, ಇಳಿಯಲೂ ಅಲ್ಲ. ಕುಳಿತುಕೊಳ್ಳಲೂ ಹೌದು.

ಒಳಗಿರುವ ಮಾತುಗಳು ಹೊರಗೆಡವಲೂ ಅಲ್ಲ, ಒಳಗೆ ನುಂಗಿಕೊಳ್ಳಲೂ ಅಲ್ಲ. ಆದರೆ ಅವು ಬಹುಕಾಲದಿಂದ ಕಾಯುತ್ತಲೇ ಇವೆ. ಕಾದು ಕಾದು ಬಿಸಿಯೇರಿದೆ. ಈಗ ಹೊರಗೆಡಬೇಕು ಅಥವಾ ನುಂಗಬೇಕು. ಹಾಗೆಯೇ ತಣ್ಣಗಾಗುವ ಬಗೆಯೇನಾದರೂ ಇದೆಯಾ?

ನೋಡುಗರ ಕಣ್ಣಲ್ಲಿ ನಾನೊಂದು ಪರಮ ಶಾಂತಿ. ಆದರೆ ಅದು ನನ್ನೊಳಗೆ ಬರೀ ಭ್ರಾಂತಿ. ಒಳಗೆ ಪದೇ ಪದೇ ಪ್ರತಿಧ್ವನಿಸುತ್ತಿರುವ ಸದ್ದುಗಳ ಸೊಲ್ಲಡಗಿಸಿ ಸುಮ್ಮನಿರಿಸಲು ಹೇಗಾದೀತು? ಆಪ್ತ ಸಮಾಲೋಚನೆಗೆ ಬಂದವರು ಇದನ್ನು ಹೇಳಿದರೆ, “ಪದೇ ಪದೇ ಆಲೋಚನೆಗಳು ಬರುತ್ತಿದ್ದರೆ ಅದನ್ನು ಚಿಂತಾಚಕ್ರ ಅಥವಾ ಡಿumiಟಿಚಿಣioಟಿ ಎನ್ನುತ್ತೇವೆ. ಅದರಿಂದ ನೀವು ಹೊರಗೆ ಬರಬೇಕು” ಎಂದು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟು ಕಳುಹಿಸುತ್ತಿದ್ದೆ. ಆದರೆ ನನಗೆ ನಾನು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟುಕೊಳ್ಳಲು ಆಗದು.

ಸದ್ದಿಲ್ಲದ ಹಗಲಲ್ಲಿ, ಸದ್ದಡಗಿದಾಗ ರಾತ್ರಿಯಲ್ಲಿ ಹಳೆಯ ಮಾತುಕತೆಗಳು, ತಪುö್ಪಗಳು, ಬೇಸರಗಳು, ಪಶ್ಚಾತ್ತಾಪಗಳು ಮತ್ತು ವೈಫಲ್ಯಗಳು ಹಿಂದೆ ಹಿಂದೆಯೇ ಕಡಲ ತಡಿಗೆ ಬಂದಪ್ಪಳಿಸುವ ತಡೆಯಲಾಗದ ಅಲೆಗಳಾಗಿರುತ್ತವೆ. ಬೆಳಗಾದಾಗ ಗತ್ಯಂತರವಿಲ್ಲದೇ ಮಾಡುವ ಗದ್ದಲದಲ್ಲಿ ರಾತ್ರಿಗಾಗಿ ಕಾಯುತ್ತಾ ಒಳಗವಿತಿರುವ ಹೆಗ್ಗಣಗಳಂತೆ, ಜಿರಳೆಗಳಂತೆ ಅದೆಲ್ಲೋ ಬಿದ್ದಿರುತ್ತವೆ. ರಾತ್ರಿಯಾದರೆ ಸಾಕು ಮೆದುಳೆಂಬ ಒಡಕಲು ಪ್ರೊಜೆಕ್ಟರ್ ತನ್ನ ಮಾಸಲು ಸಿನಿಮಾವನ್ನು ತಂತಾನೆ ತೋರಿಸಲಾರಂಭಿಸುತ್ತವೆ.
ಅವರಿಗೆ ಇವರಿಗೆ ನಾನು ಹೇಳುವುದು ಅದೆಷ್ಟು ಕಪಟತನದ್ದು!
‘ಇದು trap of overthinking. ನೀವು ಹೊರಗೆ ಬರಬೇಕು.’
ನನಗೇ ಅವನ್ನು ನೋಡಿಕೊಳ್ಳಲು ಆಗಿಲ್ಲ. ನೋಡಿಕೊಳ್ಳಲು ಆಗಿಲ್ಲ ಎನ್ನುವುದಕ್ಕಿಂತ ನೋಡಿಕೊಳ್ಳಲು ಭಯ. ನನಗೆ ನನ್ನ ಮೇಲೆಯೇ ಜಿಗುಪ್ಸೆ ಬಂದುಬಿಟ್ಟೀತೆAಬ ಭಯ. ಆದರೆ ನೋಡಿಕೊಂಡರೆ ಬಾಧೆ ನಿವಾರಣೆಯಾಗಬಹುದು. ಚಿಂತಾಚಕ್ರ ತಿರುಗುತ್ತಿದ್ದಂತೆ, ಬಹುಕಾಲ ತಿರುಗುತ್ತಲೇ ಇದ್ದಂತೆ ಸವೆಯುವುದು. ಆ ಸವಕಳಿ ಚಿಂತಾಚಕ್ರವನ್ನು ಇಲ್ಲವಾಗಿಸದು. ಆದರೆ ಅದು ಸುತ್ತಲು ಮಧ್ಯದ ಕೀಲಾಗಿರುವ ನನ್ನ ಬಳಲಿಸುವುದು.

ಆ ಬಳಲಿಕೆಯೇ ನನ್ನ ವಯಸ್ಸಿಗಿಂತ ಹೆಚ್ಚು ಆಯಸ್ಸಾದಂತೆ ಕಾಣಿಸುವುದು. ಇರುವುದಕ್ಕಿಂತ ದೇಹ ಭಾರವಾಗಿರುವುದು.
ಹೌದಲ್ಲಾ, ಏರುತ್ತಲೋ, ಇಳಿಯುತ್ತಲೋ ಹೆಣಗಾಡುವ ಬದಲು ಕುಳಿತಾದ ಅಂದೆತದ್ದೋ ಪ್ರಶಾಂತತೆ ಒದಗಿದೆ ಇಂದು! ನನಗೆ ನಾನೇ ಹಳೆಯ ಸ್ನೇಹಿತನಾಗಿ ಕುಳಿತುಕೊಂಡು ನನ್ನದೇ ಮಾತುಗಳಿಗೆ ನಾನೇ ಕಿವಿಯಾಗುವ ಸರತಿ ಇಂದು ಒದಗಿತೇ?
ನನಗೆ ನಾನೇ ಹೇಳಿಕೊಳ್ಳುವುದು ಪರಕೀಯವೆನ್ನಿಸಿದರೂ ಒಂದಿಷ್ಟು ಉಸಿರಾಡಲು ಸರಾಗವೆನಿಸಿದೆ. ಕೈ ಮುಷ್ಟಿಗಟ್ಟಿದರೂ ಒಳಗೇ ಸಡಿಲವಾಯಿತು. ಮಡಿಸಿದ ಮೊಣಕೈ ತೊಡೆಯ ಮೇಲೆ ಒತ್ತುವುದನ್ನು ನಿಲ್ಲಿಸಿ ಹಗುರವಾಗಿ ಹತ್ತಿಯಂತೆ ಊರಿತು. ಮಧ್ಯಾಹ್ನದಲ್ಲೂ ತಂಗಾಳಿಯು ಮುಖಕ್ಕೆ ಮುತ್ತಿಡತೊಡಗಿತು.

ನಾಳೆ ಈ ಚಿಂತಾಚಕ್ರ ಮತ್ತೆ ತಿರುಗಣಿಯಾಗಬಹುದೇನೋ. ಆದರೆ ಚಿಂತೆಗಳ ನಡುನಡುವೆ ಒಂದಿಷ್ಟು ಉಸಿರುತೆಗೆದುಕೊಳ್ಳಲು ಸಾಧ್ಯವಾಗಿದ್ದು, ಏರುವುದನ್ನು, ಇಳಿಯುವುದನ್ನು ಬಿಟ್ಟು ಈ ಮೆಟ್ಟಿಲುಗಳ ಮೇಲೆ ಕೂತಿದ್ದಕ್ಕೆ.
‘ಹೌದು ಕಣೋ ಆತ್ಮಾ, ಹೌದು!’

Continue Reading

ಅಂತರಂಗ

ಡಾ. ಆತ್ಮಾರಾಮನ ಆತ್ಮನಿವೇದನೆ ; ಒಳಗನ್ನಡಿಯಲ್ಲಿ ಮೌನದ ಮುಖ

Published

on

~ಯೋಗೇಶ್ ಮಾಸ್ಟರ್, ಚಿಂತಕರು

ಪ್ತ ಸಮಾಲೋಚಕ ಮತ್ತು ಮನೋವೈದ್ಯ
ಹಾಗಂತಿರುವ ನನ್ನ ಮನೆಯ ಮುಂದಿನ ನನ್ನ ಪರಿಚಯ. ಅದನ್ನೇ ನಾನೆಂದು ತಿಳಿದಿರುವ ಹೊರಗಿನವರಿಗೆಲ್ಲಾ ನನ್ನೊಳಗಿರುವ ಅಪರಿಚಿತನ ಹೇಗೂ ಕಾಣಲಾಗದು.

ಲೋಕ ಕಾಣುವ ಅಥವಾ ನಾನು ತೋರುವ ಮುಖದ ಮುಸುಕನ್ನು ಸರಿಸಿ ಇಣುಕುವಷ್ಟು ಯಾರಿಗಾದರೂ ಅದೆಷ್ಟು ಬಿಡುವಿರುವುದು! ಪರದೆಯ ಮೇಲಿನ ಡಾ. ಆತ್ಮಾರಾಮನ ನೆರಳಿನಾಟವನ್ನು ಮೆಚ್ಚುವರು, ಹೊಗಳುವರು, ತೆಗಳುವರು, ತಿರಸ್ಕರಿಸುವರು; ಅವರವರ ಕಣ್ಣುಗಳ ಅಭಿರುಚಿಗೆ ತಕ್ಕಂತೆ.
ಪರರ ರುಚಿಗೆ ಎಟಕುವುದು ಚಹರೆಗಳೇ ತಾನೇ! ಅವರ ಕಣ್ಣುಗಳಿಂದಲೇ ನನ್ನ ನಾನು ಕಂಡುಕೊಳ್ಳಲು ಅಥವಾ ಕಾಣಿಸಿಕೊಳ್ಳಲು ಸಾಕಾಗಿ ನನ್ನ ಕಣ್ಣುಗಳು ಮುಚ್ಚಿಕೊಂಡವು. ಅದೆಷ್ಟೋ ಹೊತ್ತು ಹಾಗಿದ್ದೆನೋ!

ಚಹರೆಗಳ ನೆರಳುಗಳನ್ನು ನುಂಗಿಕೊAಡ ಕಣ್ಣೊಳಗಿನ ಕತ್ತಲೆಯಲ್ಲಿ ಬೆತ್ತಲೆಯಾಗಿರುವುದು ಸುಖ. ಅದು ನಿರಾಳತೆಯ ಸುಖ. ತರಾವರಿ ತೊಡುಗೆಗಳ ತೂಕವನಿಳಿಸಿಕೊಂಡ ನಿರಾತಂಕದ ನೆಮ್ಮದಿ. ಕತ್ತಲು; ಅದೆಷ್ಟು ಆಳ! ಗೂಢತೆಗಳ ಮೇಳವದೆಷ್ಟಿದ್ದರೂ ತೋರ್ಪಡಿಸಿಕೊಳ್ಳುವ ಕಾತುರವಿಲ್ಲದ ನಿರಹಂಕಾರದ ನಿರಾಳತೆ!

ಬೆಳಕಿನದೇ ಸಮಸ್ಯೆ. ಅದರಲ್ಲದೆಷ್ಟು ಬಣ್ಣಗಳು, ಬಣ್ಣನೆಗಳು. ವ್ಯತ್ಯಾಸಗಳು, ವ್ಯತ್ಯಯಗಳು. ಸಮೀಕರಣಗಳು, ಅಸಮಾನತೆಗಳು. ಉಪಮೆಗಳು, ಉದಾಹರಣೆಗಳು. ಸಾಧಾರಣಗಳು, ಅಸಾಧರಣಗಳು. ಅಸೂಯೆಗಳು, ಆಯಾಸಗಳು. ಕತ್ತಲು ನೆಮ್ಮದಿ. ಮುಚ್ಚಿರುವ ಕಣ್ಣೊಳಗಿನ ಕತ್ತಲಿನಲ್ಲಿ ಕಾಣತೊಡಗಿದ ನನ್ನ ಬಿಂಬವನ್ನು ನೋಡುತ್ತಲೇ ಕುಳಿತುಬಿಟ್ಟೆ. ಹೌದಲ್ಲಾ, ಇಷ್ಟು ಕಾಲ ಮುಚ್ಚಿಟ್ಟಿದವರೇ ಈಗ ಬಿಚ್ಚಿಡುತ್ತಿದ್ದಾರೆ.

ಹೌದು, ಮನಸ್ಸೆಂಬುದೇ ಹಾಗೆ. ಅದು ತನಗೆ ತಾನೇ ತೊಂದರೆಯನ್ನು ಉಂಟುಮಾಡಿಕೊಳ್ಳುತ್ತದೆ. ತಾನೇ ಗೋಗರೆಯುತ್ತದೆ. ತಾನೇ ಸಹಾಯವನ್ನು ನಿರಾಕರಿಸುತ್ತದೆ. ತಾನೇ ಗೋಳಿಡುತ್ತದೆ. ತಾನೇ ಸಂತೈಸುತ್ತದೆ.
ತಿಕ್ಕಲು, ತಾನೇ ಹಾಳು ಮಾಡುವುದು, ತಾನೇ ಗೋಳಿಡುವುದು, ತಾನೇ ಸರಿ ಮಾಡುವುದು. ಈಗ ಸರಿಮಾಡಿಕೊಳ್ಳುವ ಮಗ್ಗುಲಿಗೆ ತಿರುಗಿಕೊಂಡಿದೆ. ಸರಿ ಹೋಗಿಬಿಡಲಿ.
ಸರಿ ಹೋಗುವುದೋ ಬಿಡುವುದೋ, ಸರಿಯಿಲ್ಲ, ಸರಿ ಮಾಡಬೇಕಾಗಿದೆ ಅಂತ ಗೊತ್ತಾಯಿತಲ್ಲಾ ಅಷ್ಟೇ ಸಾಕು.
ರೋಗವಿದೆ ಎಂಬ ಅರಿವು ಬಹುದೊಡ್ಡ ಉಪಶಮನ. ರೋಗವನ್ನೇ ಆರೋಗ್ಯವೆಂದು ಭಾವಿಸಿದ್ದು, ಈಗ ರೋಗ ಎಂದು ತಿಳಿಯಿತಲ್ಲಾ, ಅದೇ ಗುಣಮುಖವಾಗುವ ಮುನ್ಸೂಚನೆ.

ಇಷ್ಟೂ ದಿನಗಳ ಕಾಲ ಕನ್ನಡಿಯೊಳಗೆ ಮುಖ ನೋಡಿಕೊಳ್ಳುತ್ತಿದ್ದದ್ದು, ಇತರರಿಗೆ ಹೇಗೆ ಕಾಣಿಸುತ್ತೇನೆ, ಹೇಗೆ ಕಾಣಿಸಬೇಕು ಎಂದು. ಆದರೆ ಇಂದು ಕತ್ತಲಿನ ಕನ್ನಡಿಯಲ್ಲಿ ಕಾಣುತ್ತಿರುವ ಮುಖದ ಒಳಗಿನ ಮೌನ ತನ್ನ ಗುರುತಿನ ಪರದೆಯನ್ನು ಹರಿಯುತ್ತಿದೆ. ಯಾವ ಅಡಿಗಿದ್ದ ಮೌನ ನನ್ನಾತ್ಮದ ಕವಚವಾಗಿತ್ತೋ ಅದು ಕಾರಾಗೃಹವೆನಿಸಿ ಉಸಿರುಕಟ್ಟಿಸಿದ್ದು ಒಳ್ಳೆಯದೇ ಆಯಿತು.
ಮೌನ ದನಿಯಾಗುತ್ತಿದೆ. ದನಿ ಬನಿಯಾಗುತ್ತಿದೆ.
ಹಾಗಾಗಿಯೇ ಬೆಳಕಿನಲ್ಲಿ ವಿವಿಧ ಬಣ್ಣಗಳನ್ನು ಹಚ್ಚಿ ಬಣ್ಣಿಸಿದ್ದ ಎಲ್ಲಾ ಸಂಬAಧಗಳು, ಸಂಗತಿಗಳು, ಸಂವಹನಗಳು, ಸಂಘರ್ಷಗಳು ಈಗ ನೆನಪಿನ ನೆರಳುಗಳಾಗಿ ಆಳವಾದ ಕತ್ತಲಲ್ಲಿ ಬಣ್ಣ, ಬಣ್ಣನೆಗಳನ್ನು ಕಳೆದುಕೊಂಡಿವೆ.
ಅವರಿವರ ಮನಸ್ಸುಗಳ ಮಸುಕು ಮಾಡುವ ಮುಸುಕುಗಳ ತೆಗೆಯಲು ಸಹಕರಿಸುತ್ತಿದ್ದವನಿಗೆ ಸ್ವಸಹಾಯ ಮಾಡಿಕೊಳ್ಳಲು ಅದೇ ಮನಸ್ಸು ಮನಸ್ಸು ಮಾಡಿದೆ. ಆಗಲಿ, ಅದೂ ಆಗಿ ಹೋಗಲಿ.

ಮನೋವೈದ್ಯ ತನ್ನೊಳಗಿನ ರೋಗವನ್ನು ಪತ್ತೆ ಮಾಡಿಕೊಳ್ಳಲಿ. ಆಪ್ತ ಸಮಾಲೋಚಕ ತನ್ನಿರುವಿಗೆ, ತನ್ನಾಳಕೆ ಒಂದಿಷ್ಟು ಕಾಲ ಆಪ್ತನಾಗಿರುವ ಅವಕಾಶವನ್ನು ದಕ್ಕಿಸಿಕೊಳ್ಳಲಿ. ಮೌನವನ್ನು ಓದುವ ಓರಗೆಯವರಿದ್ದಾರೆ. ಓದಲಿ.
ವೈದ್ಯನೊಬ್ಬ ತಾನು ರೋಗಿಯಾಗಿರಲಿಲ್ಲ, ಅಥವಾ ತನಗೆ ರೋಗ ಬರುವುದಿಲ್ಲ ಎನ್ನುವುದು ಆತ್ಮವಂಚನೆ. ತನಗೆ ತಾನು ವಂಚಿಸಿಕೊಳ್ಳುವವನು ಜಗತ್ತಿನ ಯಾರೊಂದಿಗೆ ವಿಶ್ವಾಸವನ್ನು ಸಂಚಯ ಮಾಡಿಯಾನು!

ಮತ್ತೆ ಸಿಕ್ಕಿದನವನು ಮೌನದಲಿ
ಕಳೆದಿದ್ದವನು ಗದ್ದಲದಲಿ
ಗಾಯಗಳು ಮರೆತಿವೆ
ನೋವಿಲ್ಲದ ಕಲೆಗಳ ಹಿಂದೆ
ಪ್ರತಿ ಉಸಿರು ಆಸೆಗಳ ಬಸಿರು
ಹೆರಲಾಗದೆ ಘನವಾದ ಕಣ್ಣೀರು
ಕರಗುವುದೊಮ್ಮೆ ಹೆಪುö್ಪಗಟ್ಟಿದ ಕಾರ್ಮೋಡ
ಸುರಿವುದಲ್ಲಿ ಒಳಗಣ್ಣಿಂದ ಮಳೆಯು ನೋಡ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

ದಿಮಾಗಿ ನಕ್ಸಲ್-ನಗರ ನಕ್ಸಲ್

Published

on

~ರಹಮತ್ ತರೀಕೆರೆ, ಚಿಂತಕರು

ಕಾರ್ನಾಡರಲ್ಲಿ ನನಗೆ ಮೊದಲಿಂದಲೂ ವೈಯಕ್ತಿಕ ಸಂಪರ್ಕ ಇರಲಿಲ್ಲ. ಅನಂತಮೂರ್ತಿ ಅವರಂತೆ ಅವರು ಕಿರಿಯ ಲೇಖಕರ ಜತೆ ನಂಟಿರಿಸಿಕೊಂಡವರಲ್ಲ. ಯಾರಿಗಾದರೂ ಮುನ್ನುಡಿ ಬರೆದಿದ್ದೂ ನನಗೆ ತಿಳಿದಿಲ್ಲ. ತಾವಾಯಿತು ತಮ್ಮ ಬರೆಹ, ಸಿನಿಮಾ ಆಯಿತು ಎಂದಿದ್ದವರು. ಮಹಾರಾಷ್ಟ್ರದಲ್ಲಿ ಹುಟ್ಟಿ, ಜೀವಿತದ ಬಹುಕಾಲ ಕರ್ನಾಟಕದ ಹೊರಗಿದ್ದ ಅವರು, ಕರ್ನಾಟಕದ ಸಾರ್ವಜನಿಕ ಕಾರ್ಯಕ್ರಮಗಳಲ್ಲೂ ಹೆಚ್ಚು ಕಾಣಿಸಿದವರಲ್ಲ. ಸಮಕಾಲೀನರಾದ ತೇಜಸ್ವಿ ಲಂಕೇಶ್ ಅನಂತಮೂರ್ತಿ ಅವರಂತೆ ಪಬ್ಲಿಕ್ ಇಂಟಲೆಕ್ಚುವಲ್ ಕೆಲಸವನ್ನು ಮೈಮೇಲೆ ಹಾಕಿಕೊಂಡು, ಕರ್ನಾಟಕದ ಕಷ್ಟದ ದಿನಗಳಲ್ಲಿ ತಮ್ಮ ಮಾತು ಭಾಷಣ ಬರೆಹಗಳಿಂದ ಜನಾಭಿಪ್ರಾಯ ರೂಪಿಸಿದವರಲ್ಲ.

ಹೀಗಿದ್ದ ಕಾರ್ನಾಡರು ಬಾಳಿನ ಕೊನೆಯ ವರ್ಷಗಳಲ್ಲಿ ಆಶ್ಚರ್ಯಕರವಾಗಿ ಬದಲಾದರು; ಸಾರ್ವಜನಿಕ ಮಹತ್ವದ ಪ್ರಸಂಗಗಳಲ್ಲಿ ಮಾತಾಡಿದರು. ಹಠಬಿದ್ದಂತೆ ಬೀದಿಗಿಳಿದರು. ಈ ರೂಪಾಂತರಕ್ಕೆ ಕಾರಣ, ಪ್ರಭುತ್ವಗಳು ರಾಜಕೀಯ ಸೈದ್ದಾಂತಿಕ ಭಿನ್ನಮತಗಳನ್ನು ದಮನಿಸುವ ನಡೆಗಳಿರಬಹುದು; ಅನಂತಮೂರ್ತಿ ತೇಜಸ್ವಿ ಲಂಕೇಶ್ ತೀರಿಕೊಂಡ ಬಳಿಕ, ಉಂಟಾದ ರಿಕ್ತತೆ ಅವರನ್ನು ಈ ಹೊಸ ಪಾತ್ರ ನಿರ್ವಹಿಸುವಂತೆ ಆಹ್ವಾನಿಸಿರಬಹುದು. ಅವರು ತಮ್ಮ ಮಾತು, ಕೃತಿ, ಕ್ರಿಯೆಗಳಲ್ಲಿ ಭಾರತವನ್ನು ಆವರಿಸುತ್ತಿರುವ ಮತೀಯತೆ ಕುರಿತು ವ್ಯಗ್ರರಾಗಿದ್ದರು.

ಅವರು ಮಾಡಿದ ಸಾರ್ವಜನಿಕ ಪ್ರತಿರೋಧದ ಪ್ರಕರಣಗಳನ್ನು ಗಮನಿಸಬೇಕು. ಬಾಬರಿ ಮಸೀದಿಯ ಧ್ವಂಸವನ್ನು ವಿರೋಧಿಸಿದ್ದು; ನೈಪಾಲರ ಬಲಪಂಥೀಯವಾದ ಬೆಂಬಲಿಸುವ ನಿಲುವನ್ನು ಖಂಡಿಸಿದ್ದು; ಬಾಬಾಬುಡನಗಿರಿ ಚಳುವಳಿಯಲ್ಲಿ ಭಾಗವಹಿಸಿದ್ದು; ಟಿಪ್ಪು ನೆನಪಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು; ಟಿಪ್ಪು ಕುರಿತು ನಾಟಕ ಬರೆದಿದ್ದು; ಎಂ. ಎಫ್. ಹುಸೇನರ ಸೃಜನಶೀಲತೆ ಪರವಾಗಿ ನಿಂತಿದ್ದು; ಗೋರಕ್ಷಣೆ ಹೆಸರಲ್ಲಿ ನಡೆಯುತ್ತಿರುವ ಉಪಟಳ ವಿರೋಧಿಸಿ `ನಮ್ಮ ಆಹಾರ ನಮ್ಮ ಹಕ್ಕು’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು. ಇಲ್ಲಿನ ಕೊನೆಯ ಕಾರ್ಯಕ್ರಮದಲ್ಲಿ ಅವರೊಟ್ಟಿಗೆ ಅನಂತಮೂರ್ತಿಯವರೂ ಇದ್ದರು. ಭಾರತದಲ್ಲಿ ಇಬ್ಬರು ಜ್ಞಾನಪೀಠ ಲೇಖಕರು ಇಂತಹದೊಂದು ಸಾರ್ವಜನಿಕ ಪ್ರತಿರೋಧದ ಕಾರ್ಯಕ್ರಮದಲ್ಲಿ ಒಟ್ಟಿಗೆ ಭಾಗವಹಿಸಿದ್ದು ಅಪೂರ್ವ ಸಂಗತಿ.

ನನಗೆ ಅವರ ಜತೆ ಮೊದಲ ಮುಖಾಬಿಲೆ ಆಗಿದ್ದು ಬಾಬಾಬುಡನಗಿರಿಗೆ ಮಾಡಿದ ಪಯಣದಲ್ಲಿ. ಸೂಫಿಗಳ ಮೇಲೆ ತುಸು ಅಧ್ಯಯನ ಮಾಡಿದವನೆಂದು ನನ್ನನ್ನು ಅವರೊಟ್ಟಿಗೆ ಕೂರಿಸಲಾಗಿತ್ತು. ಅವರ ಗಂಭೀರ ಸ್ವಭಾವದ ಬಗ್ಗೆ ತಿಳಿದಿದ್ದ ನಾನು, ಅವರಾಗಿ ಏನಾದರೂ ಕೇಳಿದರೆ ಮಾತ್ರ ಹೇಳಬೇಕೆಂದು, ಸಹಪಯಣದ ಖುಶಿಯನ್ನು ಅನುಭವಿಸುತ್ತ ಜತೆಗೆ ಕೂತಿದ್ದೆ. ಗಿರಿಯನ್ನು ವಾಹನ ಹತ್ತುವಾಗ, ನೆತ್ತಿಮೇಲಣ ಶಿಖರಗಳನ್ನೂ ಕೆಳಗಿನ ಕಣಿವೆಗಳನ್ನೂ ನೋಡುತ್ತ ಕಾರ್ನಾಡರು `ಓಹ್ ಎಷ್ಟೊಂದು ಸುಂದರವಾಗಿದೆಯಲ್ಲ’’ ಎಂದು ಉದ್ಗರಿಸುತ್ತ ಮಗುವಿನಂತೆ ಪುಟಿಯುತ್ತಿದ್ದರು.

ಅವರೊಬ್ಬ ಸೆಲೆಬ್ರಿಟಿಯಾದರೂ ಸರಳವ್ಯಕ್ತಿ. ಅಭಿನಯ ಅವರ ವೃತ್ತಿಯಾದರೂ ವ್ಯಕ್ತಿಯಾಗಿ ತೋರಿಕೆಯೇ ಇಲ್ಲದ ನೇರಗುಣದವರು. ಗೋಕರ್ಣದಲ್ಲಿ ನಡೆದ ಗೌರೀಶ ಕಾಯ್ಕಿಣಿಯವರ ಶತಮಾನೋತ್ಸವ ಕಾರ್ಯಕ್ರಮದಲ್ಲಿ ನಮ್ಮನ್ನು ತೋಟದ ಮನೆಯೊಂದರಲ್ಲಿ ಉಳಿಸಲಾಗಿತ್ತು. ಕಾರ್ನಾಡರು ನನಗಿಂತಲೂ ವೈದ್ಯೆಯಾದ ನನ್ನ ಮಗಳ ಜತೆ ಹೆಚ್ಚು ಮಾತನಾಡಿದರು. ಆದಿನ ನಾನು ಅವರ `ಆಡಾಡ್ತಾ ಆಯುಷ್ಯ’ ಒಳಗೊಂಡಂತೆ (ಬೆರಗು ಹುಟ್ಟಿಸುವ ಭಾಷೆಯುಳ್ಳ ವಿಶಿಷ್ಟ ಗದ್ಯಶೈಲಿಯ ಕೃತಿಯಿದು) ಕನ್ನಡದ ಆತ್ಮಕತೆಗಳ ಬಗ್ಗೆ ಉಪನ್ಯಾಸ ಮಾಡಿದೆ. ಬಸಳೆಸೊಪ್ಪಿನ ಹೊರೆಯನ್ನು ಅವರ ಕೈಯಿಂದ ಉಡುಗೊರೆ ಕೊಡಿಸಲಾಯಿತು. ಉಪನ್ಯಾಸದ ಬಳಿಕ ಕಾರ್ನಾಡರು ಕೇಳಿದರು: “ಭಾರತದ ಮೊಟ್ಟಮೊದಲ ಆತ್ಮಕಥೆ `ಅರ್ಧಕಥಾನಕ’ ಓದಿದ್ದೀರಾ?” “ಇಲ್ಲ” “ನೀವು ಓದಲೇಬೇಕು. ಅಪರೂಪದ ಪುಸ್ತಕ. 16ನೇ ಶತಮಾನದ್ದು’’. ಬೆಂಗಳೂರಿಗೆ ಹೋದೊಡನೆ ನೆರಳಚ್ಚನ್ನು ಕಳಿಸಿಕೊಟ್ಟರು. ವ್ಯವಹಾರ ಪ್ರಜ್ಞೆಯಿಲ್ಲದವನೂ ಕಾವ್ಯಪ್ರೇಮಿಯೂ ಆದ ಜೈನ ವ್ಯಾಪಾರಿಯೊಬ್ಬನ ರೋಚಕ ಅನುಭವಗಳ ಕಥನವದು.

ಹೀಗೆ ಸಣ್ಣಗೆ ಆರಂಭವಾದ ಪರಿಚಯ `ಅಮೀರ‍ಬಾಯಿ ಕರ್ನಾಟಕಿ’ ಪುಸ್ತಕದ ಸನ್ನಿವೇಶದಲ್ಲಿ ಧಕ್ಕೆಗೊಳಗಾಯಿತು. ನಾನು ಅಮೀರಬಾಯಿ ಸಂಶೋಧನೆಗೆಂದು ಪುಣೆ ಮುಂಬೈ ತಿರುಗಾಡುವಾಗ, ಮಹಾರಾಷ್ಟ್ರದಲ್ಲಿ ಕಾರ್ನಾಡರಿಗೆ ಸಿನಿಮಾ ಮತ್ತು ಸಾಹಿತ್ಯ ಕ್ಷೇತ್ರದಲ್ಲಿರುವ ಮರ್ಯಾದೆಯನ್ನು ಗಮನಿಸಿದ್ದೆ. ಮರಾಠಿ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾಡಿದ ದಿಟ್ಟ ಭಾಷಣವು-ಅದರಲ್ಲಿ ರಾಜಕೀಯ ಪಕ್ಷಗಳು ಸೈನೀಕರಣಗೊಳ್ಳುವುದರ ಬಗ್ಗೆ ಕಟುವಾದ ವಿಮರ್ಶೆಯಿದೆ- ಅಲ್ಲಿನ ಲೇಖಕರು ನೆನಪಿಟ್ಟಿದ್ದರು. ಕನ್ನಡ-ಮರಾಠಿ ಸಾಂಸ್ಕøತಿಕ ಬಾಂಧವ್ಯದ ಕೊಂಡಿಯಾಗಿದ್ದ ಅಮೀರಬಾಯಿ ಕುರಿತ ಹೊತ್ತಗೆಯನ್ನು ಅವರೇ ಬಿಡುಗಡೆ ಮಾಡಿದರೆ ಚೆನ್ನವೆನಿಸಿತು. ಹೇಗೂ `ಸಾಹಿತ್ಯ ಸಂಭ್ರಮ’ದ ಕಾರ್ಯಕ್ರಮಕ್ಕಾಗಿ ದಿನ ಮೊದಲೇ ಧಾರವಾಡಕ್ಕೆ ಬರುತ್ತಿದ್ದರು. ಹಿಂದಿನ ದಿನ ಸಂಜೆ ಬಿಡುಗಡೆ ಮಾಡಲು ಸಾಧ್ಯವೇ ಎಂದು ಕೇಳಿದೆ. ಕೂಡಲೇ ಒಪ್ಪಿದರು.

ಆದರೆ ಸಾಹಿತ್ಯ ಸಂಭ್ರಮ ಕಾರ್ಯಕ್ರಮದ ಸ್ವರೂಪದ ಬಗ್ಗೆ ಭಿನ್ನಮತ ವ್ಯಕ್ತಪಡಿಸಿ ನಾನು ಭಾಗವಹಿಸದೆ ಹೊರಗುಳಿದೆ. ಕಾರ್ನಾಡರು ಕರೆ ಮಾಡಿ “ನೀವು ಸಂಭ್ರಮಕ್ಕೆ ಬರಲು ನಿರಾಕರಿಸಿದರಂತೆ. ನಿಜವೇ?’’ ಎಂದು ಕೇಳಿದರು. ಹೌದೆಂದೆ. `ಹಾಗಿದ್ದಲ್ಲಿ ನಿಮ್ಮ ಕಾರ್ಯಕ್ರಮಕ್ಕೆ ಬರಲಾರೆ, ಕ್ಷಮಿಸಿ’ ಎಂದರು. `ಆಗಲಿ’ ಎಂದೆ. ಅವರಿಗೆ ತಾನು ಹಾಗೆ ಮಾಡಿದ್ದು ಸರಿಯಲ್ಲ ಅನಿಸಿರಬೇಕು. ಧಾರವಾಡದಲ್ಲಿರುವ ತಮ್ಮ ಒಡನಾಡಿ ಸುರೇಶ ಕುಲಕರ್ಣಿಯವರೊಟ್ಟಿಗೆ ತಮ್ಮ ಚಡಪಡಿಕೆ ಹಂಚಿಕೊಂಡರಂತೆ. ಆದರೆ ನಾನು ಕಾರ್ಯಕ್ರಮ ಮುಗಿದ ಬಳಿಕ ಪುಸ್ತಕದ ಗೌರವಪ್ರತಿ ಕಳಿಸಿಕೊಟ್ಟೆ. ಚೆನ್ನಾಗಿ ಬಂದಿದೆ ಎಂದು ಪತ್ರ ಬರೆದರು. ಅವರು ಆ ಘಟನೆಯನ್ನು ಮನಸ್ಸಿನಲ್ಲಿ ಇಟ್ಟುಕೊಂಡಂತೆ ಕಾಣಲಿಲ್ಲ. ತಮ್ಮ ಪರಿಚಿತರು ಯಾರಾದರೂ ಹಂಪಿ ನೋಡಬಯಸಿದರೆ, ನನ್ನ ಸಲಹೆ ಪಡೆಯಲು ಹೇಳುತ್ತಿದ್ದರು. ಒಮ್ಮೆ ಅವರ ನಾಟಕಗಳಲ್ಲಿ ನಟಿಸುವ ಬಂಗಾಳದ ನಟಿ ಹಂಪಿಯಲ್ಲಿ ಹಣ ಪಾಸ್‍ಪೋರ್ಟುಳ್ಳ ಪರ್ಸನ್ನು ಕಳೆದುಕೊಂಡರು. ಕಾರ್ನಾಡರು ಕರೆಮಾಡಿ ಆಕೆಗೆ ಬೆಂಗಳೂರಿನ ತನಕ ಬರಲು ಸಹಾಯ ಮಾಡುವುದು ಸಾಧ್ಯವೇ ಎಂದು ಕೇಳಿದರು.

ಸಂವಾದಕ್ಕೆ ಸದರವಾಗಿ ಸಿಗುವ ಲೇಖಕರಲ್ಲದ ಗಿರೀಶ್, ಬಾಳಿನ ಕೊನೆಯ ದಿನಗಳಲ್ಲಿ ತಮ್ಮ ಲಾಗಾಯ್ತಿನ ಸ್ವಭಾವಕ್ಕೆ ಪ್ರತಿಯಾಗಿ, ಸಾಂಸ್ಕøತಿಕ ನಾಯಕತ್ವದ ದನಿ ಮೊಳಗಿಸಿದರು. ತಮಗೆ ತಪ್ಪೆಂದು ಕಂಡ ವಿಷಯಗಳಲ್ಲಿ ಪರಿಣಾಮ ಲೆಕ್ಕಿಸದೆ ದಿಟ್ಟತನದ ನಿಲುವು ತೆಗೆದುಕೊಂಡರು. ತಮ್ಮ ತಾತ್ವಿಕ ರಾಜಕೀಯ ನಿಲುವಿಗೆ ವಿರುದ್ಧವಿರುವ ದೊಡ್ಡ ಸಾಧಕರನ್ನೂ ಲೆಕ್ಕಿಸದೆ ಶಾಬ್ದಿಕ ಹಿಂಸೆಗೆ ಗುರಿಪಡಿಸುವ ಈಚಿನ ಪದ್ಧತಿಗೆ ಬಲಿಯೂ ಆದರು. ಗೌರಿಲಂಕೇಶ್ ಸ್ಮರಣ ಕಾರ್ಯಕ್ರಮಕ್ಕೆ `ನಾನೂ ನಗರ ನಕ್ಸಲ್’ ಎಂದು ಕೊರಳಿಗೆ ಬೋರ್ಡು ಸಿಕ್ಕಿಸಿಕೊಂಡು ಬಂದ ಸನ್ನಿವೇಶ ನೆನಪಾಗುತ್ತಿದೆ. ಅದು ತೀರಾ ನಾಟಕೀಯವಾಗಿತ್ತು. ಆದರೆ ಅವರ ಸ್ಪಷ್ಟತೆ ಧೈರ್ಯ ಸಿಟ್ಟು ಹತಾಶೆ ಆಕ್ಟಿವಿಸಂಗಳ ಆತ್ಯಂತಿಕ ರೂಪಕವಾಗಿತ್ತು. ಆರೋಗ್ಯ ಸರಿಯಿರಲಿಲ್ಲ. ಕೈಯಲ್ಲಿ ಆಮ್ಲಜನಕದ ಸಿಲಿಂಡರನ್ನು ಹಿಡಿದಿದ್ದರು. ಅಪರಾಧಿಗಳ ಕೊರಳಿಗೆ ಫಲಕ ತೂಗುಹಾಕುವುದು ಕ್ರಮವಿದೆ. ಶಿಲುಬೆಗೇರಿದ ಕ್ರಿಸ್ತನ ಕೊರಳಿಗೂ `ನಜರೇತಿನ ಅರಸ’ ಎಂಬ ವ್ಯಂಗ್ಯದ ಫಲಕ ತೂಗಿಸಲಾಗಿತ್ತು. ಆದರೆ ಕಾರ್ನಾಡರು ಇದನ್ನು ಸ್ವತಃ ಧಾರಣಮಾಡಿದ್ದರು. `ವಿಚಾರ ಮಾಡುವುದು, ಪ್ರಭುತ್ವವನ್ನು ವಿಮರ್ಶಿಸುವುದು, ಮತಧರ್ಮದ ಹಿಂಸೆ ಖಂಡಿಸುವುದು ಅಪರಾಧವಾದರೆ ನಾನೂ ಅಪರಾಧಿ’ ಎಂಬ ನಾಟಕೀಯ ತಪ್ಪೊಪ್ಪಿಗೆಯನ್ನು ಅದು ಒಳಗೊಂಡಿತ್ತು. ಜನಪದ ಮಿತ್ ಮತ್ತು ಪುರಾಣಗಳನ್ನು ನಾಟಕಗಳಿಗೆ ದುಡಿಸಿಕೊಂಡ ಕಾರ್ನಾಡರು ನಾಗರಿಕ ಹಕ್ಕುಗಳ ವಿಷಯ ಬಂದರೆ, ಮುಕ್ತ ಸಮಾಜದ ಪರವಾದ ಆಕ್ಸಫರ್ಡ್ ಪದವೀಧರರೇ. ನಾಗರಿಕ ಸಮಾಜವೊಂದರಲ್ಲಿ ಸಹಜವಾಗಿ ಇರಬೇಕಾದ ಸ್ವಾತಂತ್ರ್ಯದ ಪರವಾಗಿ ಅವರು ಸದಾ ಆಲೋಚಿಸುತ್ತಿದ್ದರು. ಫಲಕದಲ್ಲಿರುವ ಬರೆಹವು ಸ್ವಹಸ್ತಾಕ್ಷರದಲ್ಲಿತ್ತು. ದೇಶದ ಸುದ್ದಿಯಾಗಬೇಕೆಂದೇ ಇಂಗ್ಲೀಶಿನಲ್ಲಿತ್ತು. ಅದರಲ್ಲಿ ದೇಶೀಭಾಷೆಯ ಲೇಖಕ ಎಂಬುದನ್ನು ದಾಖಲಿಸುವಂತೆ `ನಾನು ಕೂಡ’ ಎಂಬ ಎರಡು ಪದಗಳು ಕನ್ನಡದಲ್ಲಿದ್ದವು. ಉಸಿರ್ಗಟ್ಟಿಸುವ ಸನ್ನಿವೇಶಕ್ಕೆ ತುಡಿಯುವಂತೆ ಕೈಯಲ್ಲಿ ಆಕ್ಸಿಜನ್ ಸಿಲಿಂಡರಿತ್ತು.

ಅದೊಂದು ಅಭಿಮಾನ ಉಕ್ಕಿಸುವ ಮತ್ತು ಎದೆಕರಗಿಸುವ ಚಿತ್ರ; ಸಮಾಜದ ಹದುಳಕ್ಕಾಗಿ ತನ್ನ ಬೇನೆಯಲ್ಲೂ ಲೇಖಕ ರಿಸ್ಕ್ ತೆಗೆದುಕೊಳ್ಳುವ ಪ್ರತೀಕ. ಕಾರ್ನಾಡರಲ್ಲಿ ಲೆಕ್ಕಾಚಾರ ದ್ವಂದ್ವ ಇರಲಿಲ್ಲ. ಅಂತರಂಗಕ್ಕೆ ಸರಿಯೆನಿಸಿದ್ದನ್ನು ಹೇಳುವ-ಮಾಡುವ ಪ್ರಾಮಾಣಿಕತೆಯಿತ್ತು. ಇದು ಅವರ ಶವಸಂಸ್ಕಾರದಲ್ಲೂ ವ್ಯಕ್ತವಾಯಿತು. ಅವರು ಸತ್ತು ದೊಡ್ಡವರಾದವರು; ಅವರನ್ನು ಕೆಟ್ಟದಾಗಿ ನಡೆಸಿಕೊಂಡು ಬದುಕಿರುವ ನಾವು ಸಣ್ಣವರಾದೆವು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending