ರಾಜಕೀಯ
ಸ್ನೇಹದ ಹಸ್ತ ತಿರಸ್ಕರಿಸಿದ್ದ ಪಾಕಿಸ್ತಾನಕ್ಕೆ ಕಾರ್ಗಿಲ್ ನಲ್ಲಿ ತಕ್ಕ ಉತ್ತರ ನೀಡಿದ್ದ ಅಜಾತಶತ್ರು !
ಸುದ್ದಿದಿನ ವಿಶೇಷ: ಅದು 1999 ನೇ ವರ್ಷ. ಭಾರತದ ಶಕ್ತಿ ಜಗತ್ತಿಗೆ ಪರಿಚಯವಾದ ವರ್ಷ. ಗಡಿಯಲ್ಲಿ ಅನಗತ್ಯ ಕಿರುಕುಳ ನೀಡುತ್ತಿದ್ದ ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಿದ ದಿನಗಳು ಅವು. ಇದಕ್ಕೆಲ್ಲ ಕಾರಣವಾಗಿದ್ದು, ಅಂದಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜಾಣ್ಮೆ ಹಾಗೂ ಸೂಕ್ತ ನಿರ್ಧಾರ.
ಹೌದು, ಜಮ್ಮು ಮತ್ತು ಕಾಶ್ಮೀರದ ಕಾರ್ಗಿಲ್ ಪ್ರದೇಶದಲ್ಲಿ ಪಾಕಿಸ್ತಾನದ ಸೈನಿಕರು ನುಸುಳುವ ಪ್ರಯತ್ನ ಮುಂದುವರಿಸಿದ್ದರು. 1999ರಲ್ಲಿ ಪಾಕಿಸ್ತಾನದ ಸೈನಿಕರು ಕಾಶ್ಮೀರ ಕಣಿವೆಗಳ ಮುಖಾಂತರ ದೇಶದ ಒಳಗೆ ನುಸುಳುವುದು ಹೆಚ್ಚಾಯಿತು. ಇದರಿಂದಾಗಿ ಯುದ್ಧ ಘೋಷಿಸಿಸುವ ಅನಿವಾರ್ಯತೆ ಭಾರತಕ್ಕೆ ಎದುರಾಯಿತು.
ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ತಮ್ಮbಚಾಣಾಕ್ಷತನದಿಂದ ಯುದ್ಧಕ್ಕೆ ಸಿದ್ಧತೆ ನಡೆಸಿದರು ಇಡೀ ದೇಶ ಪ್ರಧಾನಿ ಬಿನ್ನಿಗೆ ನಿಂತಿತು. ಅದರ ಫಲವಾಗಿ ನಮ್ಮ ದೇಶದ ಸೈನಿಕರು ವಿರೋಚಿತವಾಗಿ ಹೋರಾಟ ನಡೆಸಿದ ವಿಜಯದ ಮಾಲೆ ಧರಿಸಿದರು. ಇದಕ್ಕೆ ಅಟಲ್ ಬಿಹಾರಿ ವಾಜಪೇಯಿ ಅವರ ಸಮಯೋಚಿತ ನಿರ್ಧಾರ ಕಾರಣವಾಯಿತು.
ಸ್ನೇಹದ ಹಸ್ತ ಚಾಚಿದ್ದ ಅಜಾತಶತ್ರು !
ಯುದ್ದಕ್ಕೂ ಮೊದಲು ಪಾಕಿಸ್ತಾನದ ಜತೆ ಸ್ನೇಹಕ್ಕೆ ಅಂದಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಸ್ನೇಹದ ಹಸ್ತ ಚಾಚಿದ್ದರು. ಆದರೆ ಪಾಕಿಸ್ತಾನ ಅದನ್ನು ಅರ್ಥ ಮಾಡಿಕೊಳ್ಳದೇ ತನ್ನ ಪ್ರವೃತ್ತಿ ಮುಂದುವೆರಿಸಿತ್ತು. ಕೊನೆಗೆ ಯುದ್ಧಕ್ಕೆ ಮುಂದಾಗಲಾಯಿತು. ಕೊನೆಗೆ ಯುದ್ದದಲ್ಲಿ ಸೋತ ಪಾಕಿಸ್ತಾನ ಭಾರತದ ಮೇಲೆ ಅಣುಬಾಂಬ್ ಹಾಕುವ ಬೆದರಿಕೆ ಹಾಕಿತು. ಇದಕ್ಕೆ ಭಾರತ ಸೊಪ್ಪು ಹಾಕಲಿಲ್ಲ. ಅಮೆರಿಕ, ಚೀನಾ ದೇಶಗಳು ಕೂಡ ಪಾಕಿಸ್ತಾನಕ್ಕೆ ಮಾನ್ಯತೆ ನೀಡಲಿಲ್ಲ. ಸ್ವಾಭಿಮಾನದ ಮೂಲಕ ಯುದ್ಧ ಗೆದ್ದ ಭಾರತ ತನ್ನ ಸಾಮರ್ಥ್ಯವನ್ನು ವಿಶ್ವಕ್ಕೆ ಪರಿಚಯಿಸಿತು. ಇದಕ್ಕೆ ಅಟಲ್ ಬಿಹಾರಿ ವಾಜಪೇಯಿ ಅವರು ಕೈಗೊಂಡ ನಿರ್ಧಾರ ಕಾರಣವಾಯಿತು ಎಂದು ಸ್ಮರಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್ |9986715401

ದಿನದ ಸುದ್ದಿ
ಬೆಂಬಲ ಬೆಲೆ | ಮೆಕ್ಕೆಜೋಳ ಖರೀದಿ ಪ್ರಕ್ರಿಯೆ ಪ್ರಾರಂಭ: ಡಿಸಿ ಗಂಗಾಧರಸ್ವಾಮಿ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ರೈತರು ಬೆಳೆದ ಮೆಕ್ಕೆಜೋಳವನ್ನು ಬುಧುವಾರದಿಂದ ರೈತರಿಂದ ಖರೀದಿಸಲಾಗುವುದು ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ರವರು ತಿಳಿಸಿದರು.
ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಮೆಕ್ಕೆಜೋಳ ಖರೀದಿ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪ್ರತಿ ರೈತರಿಂದ ಎಕರೆಗೆ 12 ಕ್ವಿಂಟಾಲ್ ಹಾಗೂ ಗರಿಷ್ಠ 50 ಕ್ವಿಂಟಾಲ್ನಂತೆ ಮೆಕ್ಕೆಜೋಳ ಉತ್ಪನ್ನವನ್ನು ಬೆಂಬಲ ಬೆಲೆ ದರ ಪ್ರತಿ ಕ್ವಿಂಟಾಲ್ಗೆ ರೂ.2400.00 ರಂತೆ ಖರೀದಿಸಲಾಗುವುದು. ಮೆಕ್ಕೆಜೋಳ ಖರೀದಿದಾರರು ಡಿಸ್ಟಿಲರಿ ಮಾಲೀಕರಿಂದ ಮಾರಾಟದ ಮೊತ್ತ ಪಡೆದ ದಿನಾಂಕದಿಂದ ಮೂರು ದಿನಗಳಲ್ಲಿ ಸಂಬಂಧಪಟ್ಟ ರೈತರಿಗೆ ಡಿಬಿಟಿ ಮೂಲಕ ಪಾವತಿಸಲಾಗುವುದು. ಖರೀದಿ ಪ್ರಕ್ರಿಯೆಗೆ ಎನ್ಇಎಂಎಲ್ (NEML) ಸಂಸ್ಥೆಯ ತಂತ್ರಾಂಶ ಅಳವಡಿಸಿಕೊಂಡು ಸರ್ಕಾರದ ಪ್ರೂಟ್ಸ್ ಪೊರ್ಟಲ್(FRUITS Portal) ಮತ್ತು ಡಿಬಿಟಿ ಸಂಯೋಜನೆಯೊಂದಿಗೆ ರೈತರ ನೊಂದಣಿ ಕಾರ್ಯ ನಿರ್ವಹಿಸಲು ಸಂಬಂಧಪಟ್ಟ ಅಧಿಕಾರಿಗಳು ಕ್ರಮವಹಿಸುವಂತೆ ತಿಳಿಸಿದರು.
ಜಿಲ್ಲೆಯಲ್ಲಿ 730 ಮೆಟ್ರಿಕ್ ಟನ್ ಮೆಕ್ಕೆಜೋಳ ಖರೀದಿಸಲು ಗುರಿಯನ್ನು ಹೊಂದಲಾಗಿದೆ. ರೈತರು ಮೆಕ್ಕೆಜೋಳ ಖರೀದಿ ಕೇಂದ್ರಗಳಲ್ಲಿ ಮಾರಾಟ ಮಾಡಿ ಇದರ ಪ್ರಯೋಜನೆ ಪಡೆದುಕೊಳ್ಳುವಂತೆ ತಿಳಿಸಿದರು. ಸಹಕಾರ ಇಲಾಖೆ ಮತ್ತು ಎಪಿಎಂಸಿ ಅಧಿಕಾರಿಗಳು ಮೆಕ್ಕೆಜೋಳ ಖರೀದಿ ಕುರಿತು ಮಾಹಿತಿಯುಳ್ಳ ಕರಪತ್ರಗಳನ್ನು ಮುದ್ರಿಸಿ ರೈತರಿಗೆ ನೀಡಬೇಕು. ಮೆಕ್ಕೆಜೋಳ ಖರೀದಿಯಲ್ಲಿ ಯಾವುದೇ ಗೊಂದಲ ಆಗದಂತೆ ಅಧಿಕಾರಿಗಳು ಕ್ರಮವಹಿಸುವಂತೆ ತಿಳಿಸಿದರು.
ಸಭೆಯಲ್ಲಿ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕ ಮಧುಸೂಧನ್, ಸಹಕಾರ ಇಲಾಖೆ ಉಪನಿಬಂಧಕ ಮಧು ಶ್ರೀನಿವಾಸ್, ಅಬಕಾರಿ ಇಲಾಖೆಯ ಉಪ ಆಯುಕ್ತ ಜುನೈದ್ , ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಜಿಯಾವುಲ್ಲಾ, ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ರಾಘವೇಂದ್ರ ಪ್ರಸಾದ್ ಹಾಗೂ ಇತರರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಾನವ ಸಂಪನ್ಮೂಲ ನೀತಿ ಗುತ್ತಿಗೆ ನೌಕರರಿಗೆ ಮಾರಕ | ನೀತಿ ರದ್ದುಗೊಳಿಸಲು ಶಾಸಕ ಜೆ.ಎಸ್.ಬಸವಂತಪ್ಪಗೆ ಮನವಿ
ಸುದ್ದಿದಿನ,ದಾವಣಗೆರೆ: ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ಪ್ರಸ್ತಾವನೆ ಎನ್ಎಚ್ ಎಂ ಸಿಬ್ಬಂದಿಗಳಲ್ಲಿ ಆತಂಕ ಮೂಡಿಸಿದ್ದು, ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರು ಮಧ್ಯಸ್ತಿಕೆ ವಹಿಸಿ ಸರಿಪಡಿಸಲು ಶಿಪಾರಸ್ಸು ಮಾಡಬೇಕು. ಈ ಬಗ್ಗೆ ಬೆಳಗಾವಿಯ ಚಳಿಗಾಲ ಅಧಿವೇಶನದಲ್ಲಿ ಪ್ರಸ್ತಾಪ ಮಾಡಬೇಕೆಂದು ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾ ಪದಾಧಿಕಾರಿಗಳು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಅವರಿಗೆ ಶನಿವಾರ ಮನವಿ ಸಲ್ಲಿಸಿದರು.
ರಾಷ್ಟ್ರೀಯ ಆರೋಗ್ಯ ಅಭಿಯಾನ ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಸುಮಾರು 30 ಸಾವಿರ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದು, ಈ ಸಿಬ್ಬಂದಿಗಳಿಗೆ ನೇಮಕಾತಿ ಮತ್ತು ವರ್ಗಾವಣೆ ಒಳಗೊಂಡು ಮಾನವ ಸಂಪನ್ಮೂಲ (HR Policy) ನೀತಿಯನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಕಳೆದ ಅ.28ರಂದು ಆದೇಶ ಹೊರಡಿಸಿ, ಅಭಿಯಾನ ನಿರ್ದೇಶಕರು, ಮುಖ್ಯ ಆಡಳಿತಾಧಿಕಾರಿಗಳು ಹಾಗೂ ಮುಖ್ಯ ಆರ್ಥಿಕ ಅಧಿಕಾರಿಗಳಿಗೆ ವರದಿ ನೀಡಲು ಸೂಚನೆ ನೀಡಿದ್ದಾರೆ.
ಈ ವಿಷಯದ ಬಗ್ಗೆ ಈಗಾಗಲೇ ಅಭಿಯಾನ ನಿರ್ದೇಶಕರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಎಲ್ಲಾ ಗುತ್ತಿಗೆ ನೌಕರರ ವೃಂದವಾರು ಸಂಘಟನೆಗಳ ಅಭಿಪ್ರಾಯ ನೀಡಲಾಗಿದೆ. ಎಲ್ಲಾ ಸಂಘಟನೆಗಳು ಈ ಒಂದು ಹೊಸ ಸಿಬ್ಬಂದಿಗಳಿಗೆ ಮಾರಕ ಇರುವಂತಹ ಮಾನವ ಸಂಪನ್ಮೂಲ ನೀತಿಯನ್ನು ಜಾರಿಗೊಳಿಸಲು ವಿರೋಧ ವ್ಯಕ್ತಪಡಿಸಿವೆ.
ಸರ್ಕಾರ ಈಗ ನೀಡುತ್ತಿರುವ ಕಡಿಮೆ ವೇತನದಲ್ಲಿ ಈ ಸಿಬ್ಬಂದಿಗಳು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ಈ ಸಿಬ್ಬಂದಿಗಳಿಗೆ ಖಾಯಂ ಸಿಬ್ಬಂದಿಗಳಂತೆ ಕಡ್ಡಾಯ ವರ್ಗಾವಣೆ ಮಾಡಿದರೆ ಈ ಕಡಿಮೆ ವೇತನದಲ್ಲಿ ಕುಟುಂಬ ನಿರ್ವಹಣೆ ಹೇಗೆ ಸಾಧ್ಯ? ಮೂರು ಮೂರು ತಿಂಗಳಿಗೊಮ್ಮೆ ವೇತನ ಆಗುತ್ತಿದ್ದು ಬೇರೆ ಜಿಲ್ಲೆಗೆ ಕಡ್ಡಾಯ ವರ್ಗಾವಣೆ ಮಾಡಿದ್ದರೆ ಮನೆ ಬಾಡಿಗೆ ಕಟ್ಟಲಾಗದೇ ಬೀದಿಗೆ ಬರಬೇಕಿದೆ ಎಂದು ಶಾಸಕರಿಗೆ ಮನವರಿಕೆ ಮಾಡಿದರು.
ಒಂದು ವೇಳೆ ಇಂತಹ ಕ್ರಮ ಕೈಗೊಂಡರೆ ಖಾಯಂ ಸಿಬ್ಬಂದಿಗಳಿಗೆ ನೀಡಿದಂತೆ ಎಲ್ಲಾ ಸೌಕರ್ಯ ಹಾಗೂ ಖಾಯಂ ಸೇರಿದಂತೆ ವೇತನ ಹೆಚ್ಚಳ ಮಾಡಿ, ಟಿಎ, ಡಿಎ, ಎಚ್ ಆರ್ ಎ ನೀಡಿ ಇಂತಹ ಆದೇಶ ಮಾಡಬೇಕು. ಸಿಬ್ಬಂದಿಗಳಿಗೆ ಬೆನ್ನು ತಟ್ಟಿ ಕೆಲಸ ಮಾಡಿಸಿಕೊಳ್ಳಬೇಕು.ಅದು ಬಿಟ್ಟು ಹೊಟ್ಟೆ ಮೇಲೆ ಹೊಡೆಯುವಂತಹ ಯಾವುದೇ ಆದೇಶ ಹೊರಡಿಸುವುದು ಎಷ್ಟು ಸರಿ ಎಂದು ಸಿಬ್ಬಂದಿಗಳು ಪ್ರಶ್ನೆ ಮಾಡಿದ್ದಾರೆ.
ಪ್ರಧಾನ ಕಾರ್ಯದರ್ಶಿಗಳ ಈ ಒಂದು ಪತ್ರ 30 ಸಾವಿರ ನೌಕರರಿಗೆ ಆತಂಕ ಸೃಷ್ಟಿ ಮಾಡಿದೆ. ಇದು ಈ ವರ್ಷದಲ್ಲಿ ಮೊದಲ ಸಾರಿ ಅಲ್ಲದೆ ಇದೇ ವರ್ಷ ಸಾಕಷ್ಟು ಮಾನಸಿಕ ಒತ್ತಡ ಹೆಚ್ಚಳವಾಗಿರುವ ಅನೇಕ ಆದೇಶ ಮಾಡಿದ್ದಾರೆ.
ಪ್ರತಿ ವರ್ಷ ಏಪ್ರಿಲ್ ಒಂದನೇ ತಾರೀಖು ಎಲ್ಲಾ ನೌಕರರಿಗೆ ಒಂದು ದಿವಸ ವಿರಾಮ ನೀಡಿ ಮುಂದುವರೆಸುತ್ತಿದ್ದು 2005 ರಿಂದ ಸುಮಾರು 20 ವರ್ಷಗಳವರೆಗೆ ಈ ಪದ್ಧತಿ ನಡೆದುಕೊಂಡು ಬಂದಿದೆ. ಆದರೆ ಈ ವರ್ಷ ಏಕಾಏಕಿ ಕೇವಲ 15 ದಿವಸ ವಿಸ್ತರಣೆ ನೀಡಿ, ತದನಂತರ ಒಂದು ತಿಂಗಳು ವಿಸ್ತರಣೆ ನೀಡಿ ಆಮೇಲೆ ಮೂರು ತಿಂಗಳ ವಿಸ್ತರಣೆ ನೀಡಿ ತದನಂತರ ಸಿಬ್ಬಂದಿಗಳಿಗೆ ಕರ್ತವ್ಯದಿಂದ ವಿಮುಕ್ತಿಗೊಳಿಸುವ ಆದೇಶ ನೀಡಿದ್ದು ನಮ್ಮ ಸಂಘಟನೆಯಿಂದ ಕೋರ್ಟ್ ನಲ್ಲಿ ದಾವೆ ಹೂಡಿದ್ದು ಇದೆ, ಕಳೆದ 8 ತಿಂಗಳಲ್ಲಿ ವೇತನ ಪಡೆಯಲು ಸರಿಯಾಗಿ ಅನುದಾನ ಬಿಡುಗಡೆ ಆಗದೇ ಸಿಬ್ಬಂದಿಗಳು ಪರದಾಡುವಂತಾಗಿದೆ. ಈ ಬಗ್ಗೆ ಸದನದಲ್ಲಿ ಗಮನ ಸೆಳೆದು ನಮಗೆ ನ್ಯಾಯ ಕೊಡಿಸಬೇಕೆಂದು ಶಾಸಕರಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ಹಾಲಸ್ವಾಮಿ, ಪ್ರಧಾನ ಕಾರ್ಯದರ್ಶಿ ಡಾ.ಮಂಜುನಾಥ್, ಸುನೀಲ್, ಸುರೇಶ್, ಮಹಾಲಿಂಗಪ್ಪ, ಬಸವರಾಜ್, ದೊಡ್ಡಮನಿ, ಡಾ.ರೇಣುಕಾ, ಇನ್ನಿತರರಿದ್ದರು.”
- ಪ್ರಧಾನ ಕಾರ್ಯದರ್ಶಿಗಳ ಆದೇಶ ರದ್ದುಗೊಳಿಸಲು ಎನ್ ಎಚ್ ಎಂ ಸಿಬ್ಬಂದಿಗಳು ಆಗ್ರಹ
- ಈ ಬಗ್ಗೆ ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ಚರ್ಚಿಸಲು ಶಾಸಕ ಕೆ.ಎಸ್.ಬಸವಂತಪ್ಪಗೆ ಸಿಬ್ಬಂದಿಗಳ ಮನವಿ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಜಿಲ್ಲಾ ಪಂಚಾಯಿತಿ ಸಿ.ಇ.ಒ ಗಿತ್ತೆ ಮಾಧವ್ ವಿಠ್ಠಲ್ ರಾವ್ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ:2023-24ನೇ ಸಾಲಿನಲ್ಲಿ ಚನ್ನಗಿರಿ ತಾಲ್ಲೂಕಿನಲ್ಲಿ ಬರುವ ಸಮಸ್ಯಾತ್ಮಕ ಗ್ರಾಮಗಳಲ್ಲಿ ತುರ್ತು ಕುಡಿಯುವ ನೀರಿನ ಕಾಮಗಾರಿಯಲ್ಲಿ ನಡೆದಿರುವ ಅವ್ಯವಹಾರ ತನಿಖೆಗೆ ಒಳಪಡಿಸುವಂತೆ ಕೋರಿ ಅರ್ಜಿ ಸಲ್ಲಿಸಿ 5 ತಿಂಗಳು ಕಳೆದರೂ ಯಾವುದೇ ತನಿಖೆ ನಡೆಸದೆ ನಿರ್ಲಕ್ಷ್ಯ ತೋರಿದ ದಾವಣಗೆರೆ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀ ಗಿತ್ತೆ ಮಾಧವ್ ವಿಠ್ಠಲ್ ರಾವ್, ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳೇಶ್ ತಿಳಿಸಿದ್ದಾರೆ.
ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇಲ್ಲಿಗೆ 2023-24ನೇ ಸಾಲಿನಲ್ಲಿ ಉಂಟಾದ ಮಳೆಯ ಅಭಾವ ಮತ್ತು ಬರದ ಕಾರಣದಿಂದ ಕೋಟ್ಯಾಂತರ ರೂಪಾಯಿಗಳನ್ನು ಕುಡಿಯುವ ನೀರಿಗಾಗಿ ಸರ್ಕಾರ ಬಿಡುಗಡೆ ಮಾಡಿರುತ್ತದೆ. ಆದರೆ ಕೆಲವು ಅಧಿಕಾರಿಗಳು ತುರ್ತು ಕುಡಿಯುವ ನೀರಿನ ಅನುದಾನವನ್ನು ದುರುಪಯೋಗಪಡಿಸಿಕೊಂಡ ಮಾಹಿತಿ ತಿಳಿದು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ, ಉಪ ವಿಭಾಗ, ಚನ್ನಗಿರಿ ಇವರಿಂದ ಮಾಹಿತಿಹಕ್ಕು ಅಡಿಯಲ್ಲಿ ದಾಖಲೆ ಪಡೆಯಲಾಗಿದೆ.
ದಾಖಲೆಗಳನ್ನು ಪರಿಶೀಲನೆ ಮಾಡಿದಾಗ ಸಾಕಷ್ಟು ಅವ್ಯವಹಾರ ನಡೆದಿರುವುದು ಕಂಡುಬಂದ ಕಾರಣ ಸೂಕ್ತ ದಾಖಲೆಗಳೊಂದಿಗೆ ದಿನಾಂಕ: 05-07-2025 ರಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪಂಚಾಯಿತಿ, ದಾವಣಗೆರೆ ಇವರಿಗೆ ದೂರು ನೀಡಿ, ತನಿಖೆಗೆ ಒಳಪಡಿಸುವಂತೆ ಕೋರಿದ್ದರು. ದೂರು ನೀಡಿ 3 ತಿಂಗಳು ಕಳೆದರೂ ದೂರು ಅರ್ಜಿಗೆ ಸಂಬಂಧಿಸಿದಂತೆ ತನಿಖೆಯನ್ನು ಕೈಗೊಂಡ ಬಗ್ಗೆ ಮಾಹಿತಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದ ದಿನಾಂಕ: 29-10-2025 ರಂದು ಜ್ಞಾಪನವನ್ನು ಸಹ ನೀಡಲಾಗಿತ್ತು.
ಆದರೆ ನಾವು ಜ್ಞಾಪನ ನೀಡಿ ಒಂದು ತಿಂಗಳು ಕಳೆದರೂ ಯಾವುದೇ ತನಿಖೆ ನಡೆಸದೆ ನಿರ್ಲಕ್ಷ್ಯ ತೋರಿದ ದಾವಣಗೆರೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ಗಿತ್ತೆ ಮಾಧವ್ ವಿಠ್ಠಲ್ ರಾವ್ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ವಕೀಲ ಡಾ.ಕೆ.ಎ.ಓಬಳೇಶ್ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoದಾವಣಗೆರೆ | ಜಿಲ್ಲಾ ಪಂಚಾಯಿತಿ ಸಿ.ಇ.ಒ ಗಿತ್ತೆ ಮಾಧವ್ ವಿಠ್ಠಲ್ ರಾವ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ4 days agoಮಾನವ ಸಂಪನ್ಮೂಲ ನೀತಿ ಗುತ್ತಿಗೆ ನೌಕರರಿಗೆ ಮಾರಕ | ನೀತಿ ರದ್ದುಗೊಳಿಸಲು ಶಾಸಕ ಜೆ.ಎಸ್.ಬಸವಂತಪ್ಪಗೆ ಮನವಿ
-
ದಿನದ ಸುದ್ದಿ6 days agoದಾವಣಗೆರೆ | ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ4 days agoದಾವಣಗೆರೆ | ಕನ್ನಡ ಚಳವಳಿ ಸಮಿತಿಯಿಂದ ಇಮ್ಮಡಿ ಪುಲಕೇಶಿ ಜಯಂತಿ ಆಚರಣೆ
-
ದಿನದ ಸುದ್ದಿ1 day agoಯಮ ಸ್ವರೂಪಿ ಗ್ಯಾಸ್ ಗೀಸರ್ ಬಳಸೋ ಮುನ್ನ ಎಚ್ಚರ ; ಇವಿಷ್ಟನ್ನು ಪಾಲಿಸಿ ಅಪಾಯ ತಡೆಗಟ್ಟಿ
-
ದಿನದ ಸುದ್ದಿ6 hours agoಬೆಂಬಲ ಬೆಲೆ | ಮೆಕ್ಕೆಜೋಳ ಖರೀದಿ ಪ್ರಕ್ರಿಯೆ ಪ್ರಾರಂಭ: ಡಿಸಿ ಗಂಗಾಧರಸ್ವಾಮಿ

