ದಿನದ ಸುದ್ದಿ
ವಿದೇಶಿ ಬಂಡವಾಳ, ಸ್ಥಳೀಯ ಹೂಡಿಕೆಯಲ್ಲಿ ಕರ್ನಾಟಕ ರಾಜ್ಯವನ್ನು ಮುಂಚೂಣಿಯಾಗಿಸುವ ಗುರಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಸುದ್ದಿದಿನ, ಬೆಂಗಳೂರು : ಕರ್ನಾಟಕ ರಾಜ್ಯ, ವಿದೇಶಿ ಬಂಡವಾಳ ಹೂಡಿಕೆ ಹಾಗೂ ಸ್ಥಳೀಯ ಹೂಡಿಕೆಯಲ್ಲಿ ಮುಂಚೂಣಿ ಕಾಯ್ದುಕೊಳ್ಳಲು ನಮ್ಮ ಸರ್ಕಾರ ಶ್ರಮಿಸುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಟೊಯೊಟಾ ಕಂಪೆನಿಯ 4800 ಕೋಟಿ ರೂಪಾಯಿ ಹೂಡಿಕೆಗೆ ನಿನ್ನೆ ರಾಜ್ಯ ಸರ್ಕಾರದೊಂದಿಗೆ ಒಪ್ಪಂದಕ್ಕೆ ಸಹಿ ಹಾಕುವ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಅವರು ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.
ಕರ್ನಾಟಕ ರಾಜ್ಯ ವಿವಿಧ ವಲಯಗಳಲ್ಲಿ ಹೂಡಿಕೆಗೆ ಪ್ರಶಸ್ತ ತಾಣವಾಗಿ ರೂಪಿಸಲು ನಮ್ಮ ಸರ್ಕಾರ ಸದ್ದಿಲ್ಲದೆ ಕೆಲಸ ಮಾಡುತ್ತಿದೆ. ರಾಜ್ಯದಲ್ಲಿ ಉತ್ಪಾದನೆ, ಸೇವಾ ವಲಯ, ಐಟಿ-ಬಿಟಿ, ಎಲೆಕ್ಟ್ರಾನಿಕ್ಸ್ ಸೆಮಿ ಕಂಡಕ್ಟರ್, ವಿದ್ಯುತ್ ವಾಹನಗಳು ಹೀಗೆ ವಿವಿಧ ವಲಯಗಳಲ್ಲಿ ಹೂಡಿಕೆಗೆ ಉತ್ತೇಜನ ನೀಡಲಾಗುತ್ತಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಹೇಳಿದರು.
ರಾಜ್ಯದಲ್ಲಿ ವಿವಿಧ ಹೂಡಿಕೆದಾರರೊಂದಿಗಿನ ಒಪ್ಪಂದದ ಕಾರ್ಯಕ್ರಮ ನಿಯಮಿತವಾಗಿ ನಡೆಯುತ್ತಿದೆ. ಕಳೆದ ವಾರ ಸೆಮಿ-ಕಂಡಕ್ಟರ್ ವಲಯದಲ್ಲಿ ಬೃಹತ್ ಒಪ್ಪಂದಕ್ಕೆ ಸಹಿ ಹಾಕಲಾಯಿತು ಎಂದು ಹೇಳಿದ ಬಸವರಾಜ ಬೊಮ್ಮಾಯಿ ಅವರು, ಮುಂದಿನ ದಿನಗಳಲ್ಲಿ ಕರ್ನಾಟಕ ವಿದ್ಯುತ್ ವಾಹನಗಳ ತಯಾರಿಕೆಯ ಪ್ರಮುಖ ಕೇಂದ್ರವಾಗಿ ಹೊರಹೊಮ್ಮಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243