ರಾಜಕೀಯ

ಕೆ ಆರ್ ಎಸ್ ಜಲಾಶಯಕ್ಕೆ ಬಾಗಿನ ಅರ್ಪಣೆ | ನೆಮ್ಮದಿ ಬದುಕಿಗೆ ಜನತೆಗೆ ಹೊಸಯೋಜನೆಗಳು ಜಾರಿ : ಹೆಚ್ ಡಿ ಕೆ

Published

on

ಸುದ್ದಿದಿನ,ಮಂಡ್ಯ | ರಾಜ್ಯದ ಜನರು ಶಾಶ್ವತವಾಗಿ ನೆಮ್ಮದಿಯಿಂದ ಬದುಕಲು ಸರ್ಕಾರ ಹಲವಾರು ಯೋಜನೆಗಳನ್ನು ಮುಂದಿನ ದಿನಗಳಲ್ಲಿ ಜಾರಿಗೆ ತರಲ್ಲಿದೆ ಎಂದು ಮುಖ್ಯ ಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದರು.

ಅವರು ಇಂದು ಕೃಷ್ಣರಾಜಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಹಲವಾರು ವರ್ಷಗಳಿಂದ ಮಂಡ್ಯ ರೈತರು ಭತ್ತವನ್ನು ಬೆಳೆಯಲು ಸಾಧ್ಯವಾಗಿರಲಿಲ್ಲ. ಆದರೆ ಇಂದು ರಾಜ್ಯದಲ್ಲಿ ಉತ್ತಮ ಮಳೆಯಾದ ಕಾರಣ ಕೃಷ್ಣರಾಜಸಾಗರ ಜಲಾಶಯ ಸೇರಿದಂತೆ ಎಲ್ಲಾ ಜಲಾಶಯಗಳು ಭರ್ತಿಯಾಗಿದ್ದು, ಮಂಡ್ಯ ರೈತರಿಗೆ ಭತ್ತ ಬೆಳೆಯಲು ಸಾಧ್ಯವಾಗಿದೆ ಎಂದು ತಿಳಿಸಿದ ಅವರು ರೈತರ ಸಾಲ ಮನ್ನಾ ಮಾಡಲಾಗಿದ್ದು, ರೈತರ ಶ್ರೇಯೋಭಿವೃದ್ಧಿಗಾಗಿ ಯೋಜನೆಗಳನ್ನು ಜಾರಿಗೆ ತಂದಿದ್ದು, ಯಾವುದೇ ಕಾರಣಕ್ಕೂ ರೈತರೂ ಆತ್ಮಹತ್ಮೆ ಮಾಡಿಕೊಳ್ಳಬಾರದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಕೃಷ್ಣರಾಜಸಾಗರದ ಜಲಾಶಯಕ್ಕೆ ಬಾಗಿನ ಅರ್ಪಿಸುವ ಸೌಭಾಗ್ಯ ನನ್ನದಾಗಿದ್ದು, ಈ ಕಾರ್ಯ ಅತ್ಯಂತ ಪವಿತ್ರವಾದದ್ದು ಆಗಿದೆ. ರಾಜ್ಯ ಜನತೆಗೆ ಆಶಯದಂತೆ ನಮ್ಮ ಸರ್ಕಾರದ ಸಚಿವರು ಆಡಳಿತ ನಡೆಸುವರು. ಈ ನಿಟ್ಟಿನಲ್ಲಿ ನಾವು ಕುಟುಂಬದ ರೀತಿಯಲ್ಲಿ ಕಾರ್ಯನಿರ್ವಹಿಸುತ್ತೇವೆ ಎಂದು ಅವರು ತಿಳಿಸಿದರು.

ರಾಜ್ಯದ ಎಲ್ಲಾ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ನಮ್ಮ ಮಂತ್ರವಾಗಿದ್ದು, ಕೊಡಗಿನಲ್ಲಿ ಮಳೆಯಿಂದ ಆದ ಅನಾಹುತಗಳನ್ನು ಸರಿಪಡಿಸಲು ಮೊದಲು ಹಂತದಲ್ಲಿ 100 ಕೋಟಿ ಅನುದಾನವನ್ನು ಬಿಡುಗಡೆ ಮಾಡಲಾಗುವುದು. ರಾಜ್ಯದ ಯಾವುದೇ ಜಿಲ್ಲೆಯನ್ನು ನಿರ್ಲಕ್ಷ್ಯ ಮಾಡದೇ ಮಾದರಿ ರಾಜ್ಯ ಮಾಡುವ ಗುರಿ ನಮ್ಮ ಸರ್ಕಾರದ್ದು ಎಂದು ಅವರು ತಿಳಿಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಜಲಸಂಪನ್ಮೂಲ ಸಚಿವರಾದ ಡಿ.ಕೆ.ಶಿವಕುಮಾರ್ ಅವರು ಕೊಡಗಿನ ತಲಕಾವೇರಿ, ಮೈಸೂರಿನ ಚಾಮುಂಡಿ ಬೆಟ್ಟದಲ್ಲಿರುವ ನಾಡದೇವತೆ ಚಾಮುಂಡೇಶ್ವರಿ ತಾಯಿಯಲ್ಲಿ ಪೂಜೆ ಹಾಗೂ ಕೃಷ್ಣರಾಜಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಿ ಸರ್ಕಾರ ಹಾಗೂ ರಾಜ್ಯದ ಜನತೆಯ ಏಳಿಗೆಗಾಗಿ ಪೂಜೆ ನೆರೆವೇರಿಸಲಾಗಿದೆ ಎಂದು ಅವರು ತಿಳಿಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಶ್ರೀರಂಗಪಟ್ಟಣದ ಶಾಸಕರಾದ ರವೀಂದ್ರ ಶ್ರೀಕಂಠಯ್ಯರವರು ಕೃಷ್ಣರಾಜಸಾಗರದ ಜಲಾಶಯವನ್ನು ಡಿಸ್ನಿ ಲ್ಯಾಂಡ್ ಮಾದರಿಯಲ್ಲಿ ಅಭಿವೃದ್ಧಿಪಡಿಸಲು ಬಜೆಟ್‍ನಲ್ಲಿ ಘೋಷಿಸಲಾಗಿದ್ದು, ಈಗಾಗಲೇ ಪ್ರವಾಸಿಗರನ್ನು ಆಕರ್ಷಿಸುತ್ತಿರುವ ಜಲಾಶಯವು ಡಿಸ್ನಿ ಲ್ಯಾಂಡ್ ಮಾದರಿಯಲ್ಲಿ ಅಭಿವೃದ್ಧಿಯಾಗುವುದರಿಂದ ಉದ್ಯೋಗ ಸೃಷ್ಠಿಯ ಜೊತೆಗೆ ಸರ್ಕಾರಕ್ಕೆ ಹೆಚ್ಚಿನ ಆದಾಯ ಹರಿದು ಬರಲ್ಲಿದೆ ಎಂದು ತಿಳಿಸಿದ ಅವರು ಕೃಷ್ಣರಾಜಸಾಗರ ಕಟ್ಟಿದ ಜನರು ಈ ಭಾಗದಲ್ಲಿ ನೂರಾರು ವರ್ಷಗಳಿಂದ ವಾಸಿಸುತ್ತಿರುವ ನಿವಾಸಿಗಳು ಹಕ್ಕು ಪತ್ರದಿಂದ ವಂಚಿತÀರಾಗಿದ್ದು, ಸರ್ಕಾರವು ಇಲ್ಲಿನ ನಿವಾಸಿಗಳಿಗೆ ಹಕ್ಕುಪತ್ರ ನೀಡಬೇಕು ಎಂದು ಕಾರ್ಯಕ್ರಮದಲ್ಲಿ ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಸಚಿವರಾದ ಜಿ.ಟಿ.ದೇವೆಗೌಡ, ಸಾರಿಗೆ ಸಚಿವರಾದ ಡಿ.ಸಿ.ತಮ್ಮಣ್ಣ, ಪ್ರವಾಸೋದ್ಯಮ ಸಚಿವರಾದ ಸಾರಾ ಮಹೇಶ್, ಮಂಡ್ಯ ವಿಧಾನಸಭಾ ಶಾಸಕರಾದ ಎಂ.ಬಿ.ಶೀನಿವಾಸ್, ಕೆ.ಆರ್.ಪೇಟೆ ವಿಧಾನಸಭಾ ಶಾಸಕರಾದ ನಾರಾಯಣಗೌಡ, ವಿಧಾನ ಪರಿಷತ್ ಶಾಸಕರಾದ ಮರಿತಿಬ್ಬೇಗೌಡ, ಶ್ರೀಕಂಠೇಗೌಡ, ಅಪ್ಪಾಜಿ ಗೌಡ, ಜಿಲ್ಲಾಧಿಕಾರಿಗಳಾದ ಎನ್.ಮಂಜುಶ್ರೀ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಜಿ.ರಾಧಿಕಾ, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಬಿ.ಶರತ್, ಕಾವೇರಿ ನೀರಾವರಿ ನಿಗಮದ ಅಧೀಕ್ಷಕ ಅಭಿಯಂತರಾದ ಅಮರ್‍ನಾಥ್ ಹಾಗೂ ಇತರೆ ಗಣ್ಯರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9986715401

Leave a Reply

Your email address will not be published. Required fields are marked *

Trending

Exit mobile version