ರಾಜಕೀಯ
ಕರ್ನಾಟಕದಲ್ಲಿ ಬಿಜೆಪಿಯಿಂದ ಜನತಂತ್ರ ಬುಡಮೇಲು ಕೃತ್ಯ
- ಕರ್ನಾಟಕದಲ್ಲಿ ಜನತಾಂತ್ರಿಕ ನಿಯಮಗಳನ್ನು ಬಿಜೆಪಿ ಬುಡಮೇಲು ಮಾಡುತ್ತಿರುವುದು ಮೋದಿ ಸರಕಾರದಡಿ ಪ್ರಜಾಪ್ರಭುತ್ವದ ಮೇಲೆ ನಡೆಯುತ್ತಿರುವ ವ್ಯಾಪಕ ದಾಳಿಯ ಭಾಗವಾಗಿದೆ. ಪ್ರಜಾಪ್ರಭುತ್ವ ಮತ್ತು ಜನತಾಂತ್ರಿಕ ಸಂಸ್ಥೆಗಳನ್ನು ರಕ್ಷಿಸುವುದು, ಚುನಾವಣೆ ಸುಧಾರಣೆಗಳು ಮತ್ತು ಪಕ್ಷಾಂತರಿ ಹಾಗೂ ಭ್ರಷ್ಟ ಜನಪ್ರತಿನಿಧಿಗಳಿಗೆ ಶಿಕ್ಷೆ ನೀಡುವುದು ಮುಂದಿನ ದಿನಗಳಲ್ಲಿ ದೇಶದ ಜನತಾಂತ್ರಿಕ ಶಕ್ತಿಗಳ ಕಾರ್ಯಸೂಚಿಯ ಆದ್ಯತೆಯಾಗಬೇಕು.
ಕಾಂಗ್ರೆಸ್, ಜನತಾ ದಳ (ಎಸ್)ದ 12ಮತ್ತು ಮೈತ್ರಿಕೂಟಕ್ಕೆ ಬೆಂಬಲ ನೀಡುತ್ತಿದ್ದ ಇಬ್ಬರು ಪಕ್ಷೇತರ ಶಾಸಕರು- ಹೀಗೆ ಒಟ್ಟು 14 ಶಾಸಕರು ರಾಜಿನಾಮೆ ನೀಡುವುದರೊಂದಿಗೆ ಕರ್ನಾಟಕದ ರಾಜಕೀಯ ಬೆಳವಣಿಗೆಗಳು ಚರಮ ಸ್ಥಿತಿಯನ್ನು ತಲುಪಿವೆ. ಕುಮಾರಸ್ವಾಮಿ ಸರಕಾರವನ್ನು ಉರುಳಿಸಲು ಕಳೆದ ಒಂದು ವರ್ಷದಿಂದ ಬಿಜೆಪಿ ಹಲವು ಬಾರಿ ನಡೆಸಿದ ಪ್ರಯತ್ನಗಳ ನಂತರ ಈ ಬೆಳವಣಿಗೆ ನಡೆದಿದೆ. ೨೦೧೮ರ ವಿಧಾನಸಭೆ ಚುನಾವಣೆಯಲ್ಲಿ ತಾನು ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ ಬಹುಮತದಿಂದ ತನಗೆ ಸರಕಾರ ನಡೆಸಲಾಗದು ಎಂಬ ವಾಸ್ತವವನ್ನು ಜೀರ್ಣಿಸಿಕೊಳ್ಳಲು ಬಿಜೆಪಿಗೆ ಆಗುತ್ತಿಲ್ಲ. ಆಳುವ ಮೈತ್ರಿಕೂಟದ ಶಾಸಕರಿಗೆ ಆಮಿಷ ಒಡ್ಡಲು ಹಾಗೂ ಲಂಚ ನೀಡಲು ಬಿಜೆಪಿ ಯಾವುದೇ ಹಿಂಜರಿಕೆ ತೋರಿಲ್ಲ. ಕೆಲವು ವರ್ಷಗಳ ಹಿಂದೆ ತಾನು ಚಾಲ್ತಿಗೆ ತಂದ ಆಪರೇಷನ್ ಕಮಲಕ್ಕೆ ಅದು ಮುಂದಾಗಿದೆ.
ಚುನಾಯಿತ ಪ್ರತಿನಿಧಿಗಳಿಗೆ ಲಂಚ ನೀಡಿ ಹಾಗೂ ಸ್ಥಾನಮಾನದ ಆಮಿಷಗಳನ್ನೊಡ್ಡುವುದು ಹಾಗೂ ಚುನಾಯಿತ ಸರಕಾರವನ್ನು ಬುಡಮೇಲು ಮಾಡಲು ಅಪಾರ ಪ್ರಮಾಣದ ಸಂಪನ್ಮೂಲವನ್ನು ಬಳಕೆ ಮಾಡುವುದು ಬಿಜೆಪಿಯ ಚಾಳಿಯಾಗಿ ಬಿಟ್ಟಿದೆ. ಇದಕ್ಕೂ ಮೊದಲು ಅರುಣಾಚಲ ಪ್ರದೇಶ ಮತ್ತು ಗೋವಾದಲ್ಲಿ ಸರಕಾರಗಳನ್ನು ರಚಿಸಲಿಕ್ಕಾಗಿ ಅದು ಪಕ್ಷಾಂತರಗಳನ್ನು ನಡೆಸಿತ್ತು. ಇಂಥ ಕೀಳು ಮಟ್ಟದ ತಂತ್ರಗಳ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಮಲಿನಗೊಳಿಸಲು ಮೋದಿ-ಷಾ ಜೋಡಿ ನೇರವಾಗಿ ಹೊಣೆಗಾರನಾಗಿದೆ.
ರಚನೆಯಾದಂದಿನಿಂದ ಯಾವುದೇ ತಾಳಮೇಳವಿಲ್ಲದ ಅಥವಾ ದಿಕ್ಕುದೆಸೆಯಿಲ್ಲದಂತೆ ವರ್ತಿಸುತ್ತಿರುವ ಕಾಂಗ್ರೆಸ್-ಜೆಡಿಎಸ್ ರಚಿಸಿದ ಅಸ್ಥಿರ ಸರಕಾರದ ಸನ್ನಿವೇಶವನ್ನು ಬಳಸಿಕೊಂಡು ಇಂಥ ಪಕ್ಷಾಂತರಗಳನ್ನು ಸಂಘಟಿಸುವಲ್ಲಿ ಬಿಜೆಪಿ ಯಶಸ್ವಿಯಾಗಿದೆ. ಕಾಂಗ್ರೆಸ್ ನಾಯಕರ ಕಚ್ಚಾಟ ಮತ್ತು ಅದರ ಕೆಲವು ಅಧಿಕಾರದಾಹಿ ಶಾಸಕರ ಕುತಂತ್ರಗಳು ಕೂಡ ಪ್ರಸ್ತುತ ಸನ್ನಿವೇಶಕ್ಕೆ ಕೊಡುಗೆ ನೀಡಿವೆ.
ಕರ್ನಾಟಕದ ರಾಜಕೀಯದಲ್ಲಿನ ಈ ಅವನತಿಯು ಭಾರತೀಯ ರಾಜಕೀಯ ವ್ಯವಸ್ಥೆಯನ್ನು ಕಾಡುತ್ತಿರುವ ಇನ್ನೂ ಆಳವಾದ ರೋಗದ ಸೂಚನೆಯಾಗಿದೆ. ದೊಡ್ಡ ಹಣಕಾಸು ಮತ್ತು ನವ ಉದಾರವಾದಿ ಬಂಡವಾಳದ ಆಕ್ರಮಣವು ಪ್ರಜಾಪ್ರಭುತ್ವ ವ್ಯವಸ್ಥೆ ಮತ್ತು ಪಕ್ಷ ವ್ಯವಸ್ಥೆಯ ಸಾರವನ್ನೇ ನಾಶಮಾಡಿದೆ. ಆಯ್ಕೆಯಾಗುತ್ತಿರುವ ಹೆಚ್ಚೆಚ್ಚು ಶಾಸಕರು ರಿಯಲ್ ಎಸ್ಟೇಟ್, ಸಾರಾಯಿ ದಂಧೆ, ಕಂಟ್ರಾಕ್ಟ್ ಇತ್ಯಾದಿ ವ್ಯಾಪಾರಿ ಹಿತಾಸಕ್ತಿ ಹೊಂದಿರುವವರಾಗಿದ್ದಾರೆ ಅಥವಾ ಗ್ರಾಮೀಣ ಸಮಾಜದ ಶ್ರೀಮಂತ ವರ್ಗಗಳಿಗೆ ಸೇರಿದವರಾಗಿದ್ದಾರೆ. ಈ ಶಕ್ತಿಗಳಿಗೆ ಬಂಡವಾಳಶಾಹಿ ಪಕ್ಷಗಳ ಟಿಕೆಟ್ ಸಿಗುತ್ತದೆ. ಈ ಜನರಲ್ಲಿ ಯಾವುದೇ ತತ್ವ ಸಿದ್ಧಾಂತದ ಲವಲೇಷವೂ ಇರುವುದಿಲ್ಲ.
ಕರ್ನಾಟಕದಲ್ಲಿ ಶಾಸಕರ ಕುದುರೆ ವ್ಯಾಪಾರ ನಡೆದಂತೆ ಆಂಧ್ರ ಪ್ರದೇಶದಲ್ಲಿ ತೆಲುಗು ದೇಶಂ ಶಾಸಕರು ಮತ್ತು ಸಂಸತ್ ಸದಸ್ಯರು ಬಿಜೆಪಿಗೆ ಸೇರಿದ್ದನ್ನು ನಾವು ನೋಡಿದ್ದೇವೆ. ಪಕ್ಷಾಂತರ ಮಾಡಿದ ತೆಲುಗುದೇಶಂನ ಎಲ್ಲಾ ನಾಲ್ವರು ರಾಜ್ಯಸಭೆ ಎಂಪಿಗಳು ವ್ಯಾಪಾರೋದ್ಯಮಿಗಳು ಎನ್ನುವುದು ಗಮನಾರ್ಹ.
ಬಿಜೆಪಿ ರಾಜಕೀಯದಲ್ಲಿ ವ್ಯಾಪಾರವನ್ನು ಬೆರೆಸುವ ಈ ವಿದ್ಯಮಾನದ ಉತ್ತುಂಗವನ್ನು ಪ್ರತಿನಿಧಿಸುತ್ತದೆ. ಈ ಪಕ್ಷ ಕಾರ್ಪೊರೇಟ್ಗಳಿಂದ ಹೆಚ್ಚು ಅನುಕೂಲ ಪಡೆದ ಪಕ್ಷವಾಗಿದ್ದು ತನ್ನ ರಾಜಕೀಯ ಕುತಂತ್ರದಾಟಗಳಿಗೆ ಈ ಹಣವನ್ನು ಬಳಸಿಕೊಳ್ಳುತ್ತಿದೆ. ಪಕ್ಷಾಂತರ ಮಾಡಿದ ಶಾಸಕರನ್ನು ಉದ್ಯಮಿ ಹಾಗೂ ಬಿಜೆಪಿ ನಾಯಕನಾಗಿರುವ ರಾಜ್ಯಸಭೆಯ ಸದಸ್ಯರೊಬ್ಬರ ಮಾಲಿಕತ್ವದ ಖಾಸಗಿ ಜೆಟ್ ಕಂಪೆನಿಯ ವಿಮಾನದಲ್ಲಿ ಮುಂಬಯಿಯ ಒಂದು ಪಂಚತಾರಾ ಹೊಟೇಲ್ಗೆ ಕರೆದುಕೊಂಡು ಹೋಗಿದ್ದು ಅಚ್ಚರಿಯ ಸಂಗತಿಯೇನೂ ಅಲ್ಲ.
ಕರ್ನಾಟಕದಲ್ಲಿ ಜನತಾಂತ್ರಿಕ ನಿಯಮಗಳನ್ನು ಬಿಜೆಪಿ ಬುಡಮೇಲು ಮಾಡುತ್ತಿರುವುದು ಮೋದಿ ಸರಕಾರದಡಿ ಪ್ರಜಾಪ್ರಭುತ್ವದ ಮೇಲೆ ನಡೆಯುತ್ತಿರುವ ವ್ಯಾಪಕ ದಾಳಿಯ ಭಾಗವಾಗಿದೆ. ಪ್ರಜಾಪ್ರಭುತ್ವ ಮತ್ತು ಜನತಾಂತ್ರಿಕ ಸಂಸ್ಥೆಗಳನ್ನು ರಕ್ಷಿಸುವುದು, ಚುನಾವಣೆ ಸುಧಾರಣೆಗಳು ಮತ್ತು ಪಕ್ಷಾಂತರಿ ಹಾಗೂ ಭ್ರಷ್ಟ ಜನಪ್ರತಿನಿಧಿಗಳಿಗೆ ಶಿಕ್ಷೆ ನೀಡುವುದು ಮುಂದಿನ ದಿನಗಳಲ್ಲಿ ದೇಶದ ಜನತಾಂತ್ರಿಕ ಶಕ್ತಿಗಳ ಕಾರ್ಯಸೂಚಿಯ ಆದ್ಯತೆಯಾಗಬೇಕು.
–ಪ್ರಕಾಶ್ ಕಾರಟ್
ಅನು: ವಿಶ್ವ
ಕೃಪೆ : ಜನಶಕ್ತಿ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಎಸ್.ಐ.ಆರ್ ಮತದಾರರ ಪಟ್ಟಿಯ ಡಿಜಿಟಲೀಕರಣ ಶೇ. 56 ರಷ್ಟು ಪೂರ್ಣ
ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ಶೇ. 56 ರಷ್ಟು ಗಣತಿ ನಮೂನೆಗಳನ್ನು ಡಿಜಿಟಲ್ ರೂಪದಲ್ಲಿ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಅವರು ತಿಳಿಸಿದರು.
ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಎಸ್.ಐ.ಆರ್.ಕುರಿತು ಮಾಹಿತಿ ನೀಡಲು ಏರ್ಪಡಿಸಿದ್ದ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.
ಜಿಲ್ಲೆಯ ಎಲ್ಲಾ ಬಿಎಲ್ಒಗಳು ಮತಗಟ್ಟೆ ಮಟ್ಟದ ಅಧಿಕಾರಿಗಳು ಮನೆ ಮನೆಗೆ ತೆರಳಿ ಅರ್ಜಿಗಳನ್ನು ವಿತರಿಸಿ, ಸ್ವೀಕರಿಸುತ್ತಿದ್ದಾರೆ. ಶೇ. 91 ರಷ್ಟು ಜನರಿಗೆ ಫಾರಂ ಭರ್ತಿ ಮಾಡಲು ತಿಳಿಯದ ಕಾರಣ ಬಿಎಲ್ಒಗಳೇ ಸಾರ್ವಜನಿಕರಿಗೆ ಸಹಾಯ ಮಾಡುತ್ತಿದ್ದಾರೆ ಎಂದರು.
ಸಾರ್ವಜನಿಕರ ಅನುಕೂಲಕ್ಕಾಗಿ ದಾವಣಗೆರೆ ನಗರದಲ್ಲಿ 45 ಕೇಂದ್ರಗಳು ಸೇರಿದಂತೆ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಹಾಗೂ ತಾಲೂಕು ಕಚೇರಿಗಳಲ್ಲಿ ಸಹಾಯ ಕೇಂದ್ರಗಳನ್ನು ತೆರೆಯಲಾಗಿದೆ. ಯಾವುದೇ ಅನುಮಾನಗಳಿದ್ದಲ್ಲಿ ಸಾರ್ವಜನಿಕರು ಬಿಎಲ್ಒಗಳನ್ನು ಅಥವಾ ಚುನಾವಣಾ ವೆಬ್ಸೈಟ್ನಲ್ಲಿ ಲಭ್ಯವಿರುವ ನೋಡಲ್ ಅಧಿಕಾರಿಗಳು ಮತ್ತು ಸೂಪರ್ವೈಸರ್ಗಳನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು.
ಸದ್ಯಕ್ಕೆ ಸಾರ್ವಜನಿಕರಿಂದ ಯಾವುದೇ ದಾಖಲೆಗಳನ್ನು ಸಂಗ್ರಹಿಸುತ್ತಿಲ್ಲ. ಆಗಸ್ಟ್ 7 ರ ನಂತರ ಯಾರು ಯಾವ ದಾಖಲೆಗಳನ್ನು ನೀಡಬೇಕು ಎಂಬುದನ್ನು ಸ್ಪಷ್ಟಪಡಿಸಲಾಗುವುದು. ಅಲ್ಲಿಯವರೆಗೆ ಸಾರ್ವಜನಿಕರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದರು.
ವಿವಿಧ ತಾಂತ್ರಿಕ ಹಾಗೂ ನೈಜ ಕಾರಣಗಳಿಂದಾಗಿ ಒಟ್ಟು 17,499 ಮತದಾರರ ಗಣತಿ ನಮೂನೆಗಳು ವಾಪಸ್ ಬಂದಿಲ್ಲ. ಇದರಲ್ಲಿ ಪ್ರಮುಖವಾಗಿ 7,487 ಮರಣ ಪ್ರಕರಣಗಳು , 263 ವಿಳಾಸ ಪತ್ತೆಯಾಗದವರು , 6,677 ಶಾಶ್ವತವಾಗಿ ಸ್ಥಳಾಂತರಗೊಂಡವರು , 2,994 ದ್ವಿಪ್ರತಿ ದಾಖಲಾತಿ (Double Entry) ಹಾಗೂ 78 ಇತರೆ ಕಾರಣ ಎಂದು ತಿಳಿಸಿದರು.
1,200 ಕ್ಕಿಂತ ಹೆಚ್ಚು ಮತದಾರರಿರುವ ಮತಗಟ್ಟೆಗಳನ್ನು ಗುರುತಿಸಿ, ಅಲ್ಲಿ ಹೊಸ ಮತಗಟ್ಟೆಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಮತದಾರರ ಪರಿಷ್ಕರಣೆಯ ಕಾರ್ಯವಿಧಾನದ ಕುರಿತು ವಿವಿಧ ರಾಜಕೀಯ ಪಕ್ಷಗಳೊಂದಿಗೆ ನಡೆದ ಸಭೆ ಯಲ್ಲಿ ಚರ್ಚಿಸಿದ್ದು, ಮುಂದಿನ ದಿನಗಳಲ್ಲಿ ಹೊಸ ಮತಗಟ್ಟೆಗಳನ್ನು ಸ್ಥಾಪಿಸುವ ಕುರಿತು ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು.
ಜುಲೈ 29ರ ವರೆಗೆ ಮಾತ್ರ ಕಾಲಾವಕಾಶ ಇರುವುದರಿಂದ ಬಿಎಲ್ಒಗಳು ಸಾಕಷ್ಟು ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ. ಆದ್ದರಿಂದ ಸಾರ್ವಜನಿಕರು ಅವರೊಂದಿಗೆ ಶಾಂತಿಯುತವಾಗಿ ವರ್ತಿಸಿ, ಸೂಕ್ತ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಒಂದು ವೇಳೆ ದ್ವಿಪ್ರತಿ (Double Entry) ಸೇರಿದಂತೆ ಯಾವುದೇ ತಪ್ಪು ಮಾಹಿತಿಗಳನ್ನು ಉದ್ದೇಶಪೂರ್ವಕವಾಗಿ ನೀಡಿದಲ್ಲಿ, ಅಂತವರ ವಿರುದ್ಧ ಎಫ್ಐಆರ್ ದಾಖಲಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್, ಮಹಾನಗರ ಪಾಲಿಕೆ ಆಯುಕ್ತ ಡಾ.ಮಹಾಂತೇಶ್ ಚುನಾವಣಾ ಶಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕ ರಾಜೇಶ್ಗೌಡ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ: ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ, ವಿಭಾಗ-2ರ ವ್ಯಾಪ್ತಿಗೆ 2023-24 ರಿಂದ 2025-26 ರವರೆಗೆ ಸ್ಥಳೀಯ ಶಾಸಕರ ಅನುದಾನದ ಅಡಿಯಲ್ಲಿ ಬಿಡುಗಡೆಯಾದ ಅನುದಾನಗಳ ಖರ್ಚು-ವೆಚ್ಚವನ್ನು ಇಲಾಖಾ ತನಿಖೆ ನಡೆಸುವಂತೆ ದೂರು ನೀಡಿ 5 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ (ಕೆ.ಆರ್.ಐ.ಡಿ.ಎಲ್) ಇದರ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಶ್ ಗೌಡ ಎಂ.ಬಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿ, ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಯುಕ್ತಾಗೆ ದೂರು ಸಲ್ಲಿಸಿದ್ದಾರೆ.
ದಾವಣಗೆರೆ ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ (ಕೆ.ಆರ್.ಐ.ಡಿ.ಎಲ್) ವಿಭಾಗ-2 ರ ವ್ಯಾಪ್ತಿಗೆ ಒಳಪಡುವ ಮಾಯಕೊಂಡ, ಹೊನ್ನಾಳಿ, ಚನ್ನಗಿರಿ ಉಪ ವಿಭಾಗಗಳು ಹಾಗೂ ವಿಭಾಗ-2ರ ಕಛೇರಿಯ ವ್ಯಾಪ್ತಿಗೆ 2023-24 ರಿಂದ 2025-26ನೇ ಸಾಲಿನ ಅವಧಿಯಲ್ಲಿ ಬಿಡುಗಡೆಯಾಗಿರುವ ಸ್ಥಳೀಯ ಶಾಸಕರ ಅನುದಾನದಲ್ಲಿ ಪ್ರತಿ ತಿಂಗಳು ಲಕ್ಷಾಂತರ ರೂಪಾಯಿ ಹಣವನ್ನು ಇಲಾಖೆಯ ವಾಹನಗಳ ಇಂಧನ ವೆಚ್ಚಕ್ಕೆಂದು ನಿಯಮಬಾಹಿರವಾಗಿ ದುರ್ಬಳಕೆ ಮಾಡಿಕೊಂಡಿರುವುದು ಮಾತ್ರವಲ್ಲದೆ, ಬಹುತೇಕ ಕಡೆಗಳಲ್ಲಿ ಯಾವುದೇ ಕಾಮಗಾರಿ ನಡೆಸದೆ ನಕಲಿ ಕಡತ ಸೃಷ್ಟಿಸಿ ಸ್ಥಳೀಯ ಶಾಸಕರ ಅನುದಾನವನ್ನು ದುರುಪಯೋಗಪಡಿಸಿಕೊಂಡಿರುವ ವಿಷಯವು ಅಧಿಕೃತ ಮೂಲಗಳಿಂದ ತಿಳಿದು ಬಂದ ಕಾರಣ ಮಾಹಿತಿಹಕ್ಕು ಅಡಿಯಲ್ಲಿ ಹಲವಾರು ಭಾರಿ ಅರ್ಜಿ ಸಲ್ಲಿಸಿ, ಮಾಹಿತಿ ಕೋರಿದಾಗಲೂ ನಿಯಮಬಾಹಿರವಾಗಿ ಹಿಂಬರಹ ನೀಡುತ್ತ ಬಂದಿರುತ್ತಾರೆ.
ಆದ ಕಾರಣ ದಾವಣಗೆರೆ ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ, ವಿಭಾಗ-2ರ ವ್ಯಾಪ್ತಿಗೆ 2023-24 ರಿಂದ 2025-26 ರವರೆಗೆ ಸ್ಥಳೀಯ ಶಾಸಕರ ಅನುದಾನದ ಅಡಿಯಲ್ಲಿ ಬಿಡುಗಡೆಯಾದ ಅನುದಾನಗಳ ಖರ್ಚು-ವೆಚ್ಚವನ್ನು ಇಲಾಖಾ ತನಿಖೆಗೆ ಒಳಪಡಿಸಿ, ಕೈಗೊಂಡ ಕ್ರಮದ ವರದಿಯನ್ನು ನೀಡುವಂತೆ ವ್ಯವಸ್ಥಾಪಕ ನಿರ್ದೇಶಕರು, ಕೆ.ಆರ್.ಐ.ಡಿ.ಎಲ್, ಬೆಂಗಳೂರು ಇವರಿಗೆ ದಿನಾಂಕ: 06-02-2026 ರಂದು ದೂರು ನೀಡಲಾಗಿತ್ತು. ಆದರೆ ದೂರು ನೀಡಿ 2 ತಿಂಗಳು ಕಳೆದರೂ ಯಾವುದೇ ತನಿಖಾ ವರದಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದ ಕಾರಣ ದಿನಾಂಕ: 21-04-2026 ರಂದು ಜ್ಞಾಪನ ನೀಡಲಾಗಿತ್ತು. ಆದರೆ ಜ್ಞಾಪನ ನೀಡಿ 2 ತಿಂಗಳು ಕಳೆದರೂ ಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಶ್ಗೌಡ ಎಂ.ಬಿ ಇವರು ಇದುವರೆಗೂ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ.
ಆದ ಕಾರಣ ನಿರ್ಲಕ್ಷö್ಯ ತೋರಿದ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ ಇದರ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಶ್ಗೌಡ ಎಂ.ಬಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತ ಕಾಯ್ದೆಯ ಅನುಸಾರ ಪ್ರಕರಣ ದಾಖಲಿಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ದೂರು ಸಲ್ಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಾಜಿ ರಾಜ್ಯಸಭಾ ಸದಸ್ಯ ಹೆಚ್ ಹನುಮಂತಪ್ಪ ನಿಧನ
ಸುದ್ದಿದಿನ,ಚಿತ್ರದುರ್ಗ:ಮಾಜಿ ರಾಜ್ಯಸಭಾ ಸದಸ್ಯರು ಹೆಚ್ ಹನುಮಂತಪ್ಪನವರು (95ವರ್ಷ) ವಯೋಸಹಜ ಅನಾರೋಗ್ಯದಿಂದ ದೈವಧೀನರಾಗಿದ್ದಾರೆ ಎಂದು ಪುತ್ರ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹೆಚ್ ಮೋಹನ್ ಅವರು ತಿಳಿಸಿದ್ದಾರೆ.
ಅಂತ್ಯಕ್ರಿಯೆಯನ್ನು ನಾಳೆ (ಸೋಮವಾರ) ಮಧ್ಯಾಹ್ನ 4:00 ಗಂಟೆಗೆ ಚಿತ್ರದುರ್ಗ ನಗರದ ಜೋಗಿಮಟ್ಟಿ ರಸ್ತೆ ಮುಕ್ತಿದಾಮದಲ್ಲಿ ನೆರವೇರಿಸಲಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoಮಾಠಾಧೀಶರ ಮೇಲೆ ಹಲ್ಲೆ ; ನಿರ್ಲಕ್ಷಿಸಿದರೆ ದುಷ್ಕೃತ್ಯ ಹೆಚ್ಚಳ ಸಂಭವ; ಕಠಿಣ ಕ್ರಮಕ್ಕೆ ಎಚ್.ಆಂಜನೇಯ ಆಗ್ರಹ
-
ಅಂಕಣ6 days agoಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ
-
ದಿನದ ಸುದ್ದಿ5 days agoಮಾಜಿ ರಾಜ್ಯಸಭಾ ಸದಸ್ಯ ಹೆಚ್ ಹನುಮಂತಪ್ಪ ನಿಧನ
-
ದಿನದ ಸುದ್ದಿ3 days agoಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕ ರಾಜೇಶ್ಗೌಡ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ3 days agoಎಸ್.ಐ.ಆರ್ ಮತದಾರರ ಪಟ್ಟಿಯ ಡಿಜಿಟಲೀಕರಣ ಶೇ. 56 ರಷ್ಟು ಪೂರ್ಣ
-
ದಿನದ ಸುದ್ದಿ15 hours agoಸ್ಟಾರ್ ಹೆಲ್ತ್ ಉಚಿತ ವೈದ್ಯಕೀಯ ಸಲಹೆ

