ರಾಜಕೀಯ
ಬರಿದಾಗುತ್ತಿದೆ ಕರ್ನಾಟಕದ ಖಜಾನೆ
- ವಿವೇಕಾನಂದ ಹೆಚ್.ಕೆ
ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ. ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ ಸಂಸಾರದಂತಾಗಿದೆ. ಮೈನಸ್ ಬಜೆಟ್ ಆಗಿ ಮುಂದುವರಿಯುತ್ತಿದೆ. ಹೇಗೋ ಕಷ್ಟ ಪಟ್ಟು ತೂಗಿಸಿಕೊಂಡು ಹೋಗುವಂತಾಗಿದೆ.
ಕರ್ನಾಟಕ ಮೂಲದ ವಿಪ್ರೋ, ಇನ್ಫೋಸಿಸ್, ಬಯೋಕಾನ್ ಮುಂತಾದ ಖಾಸಗಿ ಸಂಸ್ಥೆಗಳು ಏರು ಮುಖದ ಪ್ರಗತಿ ದಾಖಲಿಸುತ್ತಿವೆ. ಸರ್ಕಾರದ ಲೆಕ್ಕವೂ ಏರು ಮುಖದಲ್ಲಿದೆ ಆದರೆ ಸಾಲ ಮತ್ತು ಬಡ್ಡಿಯ ಲೆಕ್ಕದಲ್ಲಿ. ಇದಕ್ಕೆ ಕೇವಲ ಒಂದು ಪಕ್ಷ, ಸರ್ಕಾರ ಅಥವಾ ವ್ಯಕ್ತಿ ಕಾರಣವಲ್ಲ. ಇಡೀ ಸರ್ಕಾರಿ ವ್ಯವಸ್ಥೆಯ ಇತಿಹಾಸ ಕಾರಣವಾಗಿದೆ. ಇದೇನು ಆಶ್ಚರ್ಯಪಡುವಂತಹ ವಿಷಯವಲ್ಲ. ಸರ್ಕಾರದ ಆದಾಯ ಖರ್ಚು ಲೆಕ್ಕಗಳನ್ನು ಸೂಕ್ಷ್ಮವಾಗಿ ಮತ್ತು ಕೂಲಂಕಷವಾಗಿ ಪರಿಶೀಲಿಸಿದರೆ ಎಲ್ಲರಿಗೂ ಅರ್ಥವಾಗುತ್ತದೆ.
ಸರ್ಕಾರವೆಂಬುದು ಆಳುವ ಪಕ್ಷಗಳಿಗೆ ಬಾಡಿಗೆ ಮನೆ ಇದ್ದಂತೆ. ಅದು ಯಾವತ್ತಿಗೂ ತಾತ್ಕಾಲಿಕ ಎಂಬ ಅರಿವು ಅಧಿಕಾರಸ್ಥರಿಗೆ ತಿಳಿದಿರುತ್ತದೆ. ಆದ್ದರಿಂದ ಅವರು ಎಷ್ಟು ಸಾಧ್ಯವೋ ಅಷ್ಟು ತಮ್ಮ ಹಿತಾಸಕ್ತಿಗೆ ಅನುಕೂಲಕರ ಕೆಲಸಗಳನ್ನು ಮಾಡಿ ತಕ್ಷಣದ ಲಾಭಗಳನ್ನು ಮಾಡಿಕೊಂಡು ದೀರ್ಘಕಾಲದಲ್ಲಿ ಅದರ ಪರಿಣಾಮಗಳನ್ನು ನಿರ್ಲಕ್ಷಿಸುತ್ತಾರೆ.
ಅದರಿಂದಾಗಿಯೇ ಇವತ್ತಿನ ಖಜಾನೆಯ ಪರಿಸ್ಥಿತಿ. ಇದು ತಾತ್ಕಾಲಿಕವೇ ಇರಬಹುದು. ಮುಂದೆ ಸರಿ ಹೋಗಬಹುದು. ಆದರೆ ಸರ್ಕಾರದ ಮಟ್ಟದಲ್ಲಿ ಈ ಸ್ಥಿತಿ ಒಳ್ಳೆಯದಲ್ಲ. ಒಬ್ಬ ವ್ಯಕ್ತಿ ಅಥವಾ ಒಂದು ಖಾಸಗಿ ಸಂಸ್ಥೆಯ ಏರಿಳಿತಗಳು ಸಹಜ ಮತ್ತು ಅದರ ಪರಿಣಾಮ ಕಡಿಮೆ ಪ್ರಮಾಣದಲ್ಲಿ ಇರುತ್ತದೆ. ಆದರೆ ಶಾಸಕಾಂಗ ಕಾರ್ಯಾಂಗ ನ್ಯಾಯಾಂಗಗಳ ಹದ್ದಿನ ಕಣ್ಣಿನಲ್ಲಿ, ಅಂಕಗಳ ದೃಷ್ಟಿಯಿಂದ ಅತಿ ಬುದ್ದಿವಂತರಾದವರು ಇದನ್ನು ನಿರ್ವಹಿಸುತ್ತಿರುತ್ತಾರೆ. ರಾಜ್ಯದ ಎಲ್ಲಾ ಅಧಿಕಾರ ಮತ್ತು ಸಂಪನ್ಮೂಲಗಳು ಅವರ ನಿಯಂತ್ರಣದಲ್ಲಿಯೇ ಇರುತ್ತವೆ. ಅಲ್ಲದೆ ಇಡೀ ರಾಜ್ಯದ ಜನರ ಬದುಕಿನ ಪ್ರಶ್ನೆ ಅಡಗಿರುತ್ತದೆ. ಆದ್ದರಿಂದ ತುಂಬಾ ತುಂಬಾ ಜವಾಬ್ದಾರಿಯುತವಾಗಿ ಆರ್ಥಿಕ ಪರಿಸ್ಥಿತಿ ನಿಭಾಯಿಸಬೇಕಾಗುತ್ತದೆ.
ಕೇವಲ ಇಷ್ಟೇ ಅಲ್ಲ. ಈ ಸರ್ಕಾರ ನಡೆಸಲು ರಾಜ್ಯ ಆದಾಯದ ಅತಿದೊಡ್ಡ ಭಾಗ ಅದರ ನಿರ್ವಹಣೆಗೇ ಹೋಗುತ್ತದೆ. ಹೀಗಿದ್ದರೂ ಅವ್ಯವಸ್ಥೆ ಇದೆ ಎಂದರೆ ಸರ್ಕಾರದ ಅದಕ್ಷತೆಗೆ ಇದಕ್ಕಿಂತ ಉದಾಹರಣೆ ಬೇಕಿಲ್ಲ.
ಹಾಗಾದರೆ, ಕರ್ನಾಟಕ ಭಾರತದಲ್ಲಿ ಬಡ ರಾಜ್ಯವೇ ? ಇಲ್ಲಿನ ಆದಾಯ ಕಡಿಮೆಯಾಗುತ್ತಿದೆಯೇ ? ಸಂಪನ್ಮೂಲಗಳು ಬರಿದಾಗಿವೆಯೇ ?ಖಂಡಿತ ಇಲ್ಲ. ಹಣವೇ ಅಭಿವೃದ್ಧಿ ಎಂದು ಭಾವಿಸಿರುವ ಈ ಆಧುನಿಕ ಕಾಲದಲ್ಲಿ, ಮಾಹಿತಿ ತಂತ್ರಜ್ಞಾನದ ಸೇವೆಯಲ್ಲಿ ಬೆಂಗಳೂರು ವಿಶ್ವದ ಒಂದೋ ಎರಡನೆಯದೋ ಅತಿ ಹೆಚ್ಚು ಹಣ ಸಂಪಾದನೆಯ ನಗರವಾಗಿದೆ. ಶಿಕ್ಷಣ, ಆರೋಗ್ಯ ವಿಷಯದಲ್ಲೂ ಮುಂಚೂಣಿಯಲ್ಲಿದೆ. ಪ್ರವಾಸೋದ್ಯಮದಲ್ಲಿ ಮೈಸೂರು, ರೇಷ್ಮೆ ಬೆಳೆಯಲ್ಲಿ ರಾಮನಗರ, ಮತ್ಸೋದ್ಯಮದಲ್ಲಿ ಕರಾವಳಿ ಕರ್ನಾಟಕ, ಅಡಿಕೆ ಕಾಫಿ ಉತ್ಪಾದನೆಯಲ್ಲಿ ಮಲೆನಾಡು, ವಾಣಿಜ್ಯ ನಗರಗಳಾಗಿ ಹುಬ್ಬಳ್ಳಿ ಬೆಳಗಾವಿ, ದ್ರಾಕ್ಷಿ ದಾಳಿಂಬೆ ತರಕಾರಿ ಕೃಷಿಯಲ್ಲಿ ಬಿಜಾಪುರ ಯಾದಗಿರಿ, ಸಿದ್ದ ಉಡುಪು ಕ್ಷೇತ್ರದಲ್ಲಿ ದಾವಣಗೆರೆ ಮುಂತಾದ ಲಾಭದಾಯಕ ಪ್ರದೇಶಗಳನ್ನು ಕರ್ನಾಟಕ ಒಳಗೊಂಡಿದೆ. ಆದರೂ ಈ ಪರಿಸ್ಥಿತಿ ಏಕೆ ?
ವಾಸ್ತವದಲ್ಲಿ ಸರ್ಕಾರದ ಆದಾಯ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಲೇ ಇದೆ. ಆದರೆ ಅದನ್ನು ಖರ್ಚು ಮಾಡುವ ರೀತಿ ಅಸಮರ್ಪಕವಾಗಿದೆ. ಮುಖ್ಯವಾಗಿ ಭ್ರಷ್ಟಾಚಾರ ಮತ್ತು ದುಂದು ವೆಚ್ಚ ಇದಕ್ಕೆ ಅತಿಮುಖ್ಯ ಕಾರಣವಾಗಿದೆ. ಉದಾಹರಣೆಗೆ 100 ರೂಪಾಯಿ ಖರ್ಚು ಮಾಡುವ ಅವಶ್ಯಕತೆ ಇರುವಲ್ಲಿ ಸುಮಾರು 500 ರಷ್ಟು ರೂಪಾಯಿ ಅಧಿಕೃತವಾಗಿಯೇ ಖರ್ಚಾಗುತ್ತದೆ. ಪಾರದರ್ಶಕ ಕಾನೂನು, ಟೆಂಡರ್ ಪ್ರಕ್ರಿಯೆ ಎಲ್ಲಾ ಇದ್ದರೂ ಆ ನಿಯಮಗಳನ್ನು ಸಹ ವಂಚಿಸಲಾಗುತ್ತದೆ.
ಈ ಅವ್ಯವಸ್ಥೆ ತಡೆಯಲು ನಮ್ಮಲ್ಲಿ ಕಂಟ್ರೋಲರ್ ಅಂಡ್ ಆಡಿಟರ್ ಜನರಲ್ ಎಂಬ ಲೆಕ್ಕ ಪತ್ರ ಇಲಾಖೆಯಿದೆ. ರಿಸರ್ವ್ ಬ್ಯಾಂಕ್, ಚುನಾವಣಾ ಆಯೋಗ, ತೆರಿಗೆ ಇಲಾಖೆಯ ರೀತಿ ಇದೂ ಸಹ ಸರ್ಕಾರದ ನಿಯಂತ್ರಣದಲ್ಲಿ ಇಲ್ಲದ ಸ್ವಾಯುತ್ತ ಸಂಸ್ಥೆ. ಸರ್ಕಾರದ ಪ್ರತಿ 1 ರೂಪಾಯಿ ಖರ್ಚು ವೆಚ್ಚ ಮತ್ತು ಅದರ ಸದುಪಯೋಗದ ಮೇಲೆ ನಿಗಾ ಇಡುವ ಸಂಸ್ಥೆ ಇದು. ಆದರೂ ವ್ಯವಸ್ಥೆಯ ಮೇಲೆ ನಿಯಂತ್ರಣ ಸಾಧ್ಯವಾಗುತ್ತಿಲ್ಲ.
ಸಾಮಾನ್ಯ ಪರಿಸ್ಥಿತಿಯಲ್ಲಿಯೇ ಹಣದ ಕೊರತೆಯ ವಿಷಯದಲ್ಲಿ ಎದುಸಿರು ಬಿಡುತ್ತಿರುವಾಗ ಇನ್ನು ಪ್ರಾಕೃತಿಕ ವಿಕೋಪದ ಸಂದರ್ಭದಲ್ಲಿ ಭೀಕರತೆ ಎದುರಾಗದೆ ಇರುತ್ತದೆಯೇ ? ಸರ್ಕಾರಗಳು ಓಟಿನ ರಾಜಕೀಯದಲ್ಲಿ ತಮಗೆ ಇಷ್ಟ ಬಂದಂತೆ ಯೋಜನೆಗಳನ್ನು ಘೋಷಿಸುತ್ತಾರೆ. ಯಾವುದೇ ಪೂರ್ವ ತಯಾರಿ, ಹಣಕಾಸಿನ ನಿರ್ಧಿಷ್ಟ ಮಾನದಂಡ ಇರುವುದಿಲ್ಲ. ಹೇಗೋ ಮುಂದೆ ನೋಡೋಣ. ಈಗ ಜನ ಮೆಚ್ಚಿದರೆ ಸಾಕು ಎಂದು ಧೋರಣೆ ಇವರದು. ಜನರೂ ಸಹ ತಾತ್ಕಾಲಿಕ ಲಾಭಕ್ಕೆ ಹೆಚ್ಚು ಕಾತುರರಾಗಿರುತ್ತಾರೆ. ಆ ಎಲ್ಲದರ ಪರಿಣಾಮ ಸದ್ಯಕ್ಕೆ ದಿವಾಳಿಯತ್ತ ಕರ್ನಾಟಕ ಸರ್ಕಾರದ ಆರ್ಥಿಕ ಪರಿಸ್ಥಿತಿ.
ಭಯ ಪಡುವ ಅವಶ್ಯಕತೆ ಇಲ್ಲ. ಕರ್ನಾಟಕ ನಿಜಕ್ಕೂ ಸಂಪದ್ಭರಿತ ರಾಜ್ಯ. ಆದರೆ ಇತ್ತೀಚಿನ ಸಮ್ಮಿಶ್ರ ಸರ್ಕಾರಗಳ ಬ್ಲ್ಯಾಕ್ ಮೇಲ್ ರಾಜಕೀಯದಲ್ಲಿ, ಜಾತಿ ಅಭಿಮಾನದಲ್ಲಿ, ಮತ್ತು ಒಟ್ಟು ವ್ಯವಸ್ಥೆಯ ಭ್ರಷ್ಟಾಚಾರದಲ್ಲಿ ನಲುಗುತ್ತಿದೆ. ಜನರು ಚುನಾವಣಾ ವ್ಯವಸ್ಥೆಯಲ್ಲಿ ಜಾಗೃತರಾದರೆ ಇದಕ್ಕೆ ಪರಿಹಾರ ಖಂಡಿತ ಸಿಗುತ್ತದೆ. ಅಲ್ಲಿಯವರೆಗೂ ಜನರನ್ನು ಪ್ರಬುದ್ದರಾಗಿಸುವ ಕೆಲಸ ನಾವು ಮಾಡೋಣ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ
ಸುದ್ದಿದಿನ ಡೆಸ್ಕ್ : ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.
ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಇದೇ 30 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಇದೇ ವೇಳೆ ಬಿಹಾರದಲ್ಲಿ ನಾಮಪತ್ರ ಸಲ್ಲಿಕೆಗೆ ನಾಳೆ ಕಡೆ ದಿನವಾಗಿದ್ದು, ಈ ತಿಂಗಳ 30 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 2ರಂದು ನಾಮತ್ರ ಹಿಂಪಡೆಯುವಿಕೆಗೆ ಕೊನೆಯ ದಿನವಾಗಿರುತ್ತದೆ.
ಏಪ್ರಿಲ್ 19 ರಂದು 17 ರಾಜ್ಯಗಳು ಮತ್ತು ನಾಲ್ಕು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಅದರಂತೆ ತಮಿಳುನಾಡಿನಲ್ಲಿ 39, ರಾಜಸ್ಥಾನದಲ್ಲಿ 12, ಉತ್ತರ ಪ್ರದೇಶದಲ್ಲಿ 8, ಮಧ್ಯಪ್ರದೇಶದಲ್ಲಿ 6, ಉತ್ತರಾಖಂಡ, ಅಸ್ಸಾಂ ಮತ್ತು ಮಹಾರಾಷ್ಟ್ರದಲ್ಲಿ ತಲಾ 5 , ಬಿಹಾರದಲ್ಲಿ 4, ಪಶ್ಚಿಮ ಬಂಗಾಳದಲ್ಲಿ 3, ಅರುಣಾಚಲ ಪ್ರದೇಶ, ಮಣಿಪುರ, ಮೆಘಾಲಯದಲ್ಲಿ ತಲಾ 2 ಮತ್ತು ಛತ್ತೀಸ್ಗಢ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರ, ಅಂಡಮಾನ್-ನಿಕೋಬಾರ್ ದ್ವೀಪಗಳು, ಜಮ್ಮು-ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿ ತಲಾ ಒಂದು ಕ್ಷೇತ್ರದಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.
ಎರಡನೇ ಹಂತದಲ್ಲಿ 89 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ನಾಳೆ ಅಧಿಸೂಚನೆ ಹೊರಡಿಸಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಲೋಕಸಭಾ ಚುನಾವಣೆ | ಹೊಸ ಮತದಾರರೆಷ್ಟು ಗೊತ್ತಾ..?
ಸುದ್ದಿದಿನ ಡೆಸ್ಕ್ : 2024ರ ಲೋಕಸಭಾ ಚುನಾವಣೆಯಲ್ಲಿ ಅಂದಾಜು ಒಂದು ಕೋಟಿ 80 ಲಕ್ಷ ಹೊಸ ಮತದಾರರು ತಮ್ಮ ಅಮೂಲ್ಯ ಹಕ್ಕನ್ನು ಮೊದಲ ಬಾರಿಗೆ ಚಲಾಯಿಸಲಿದ್ದಾರೆ. ಇವರೆಲ್ಲ 18-19ರ ಪ್ರಾಯದವರು.
ಮೊದಲ ಬಾರಿಗೆ ಮತ ಚಲಾಯಿಸುವ ಯುವಕರಿಗೆ ಅವರ ಈ ಪವಿತ್ರ ಕರ್ತವ್ಯದ ಮಹತ್ವವನ್ನು ಮನಗಾಣಿಸುವ ಸಲುವಾಗಿ ಸಾಮಾಜಿಕ ಜಾಲತಾಣಗಳಲ್ಲಿ ’ನಾನು ಖಂಡಿತ ಮತ ಚಲಾಯಿಸುತ್ತೇನೆ’ ಎನ್ನುವ ಪ್ರಚಾರ ಆಂದೋಲನಗಳು ನಡೆಯುತ್ತಿವೆ.
ಈ ಬಾರಿ ಚುನಾವಣೆಯಲ್ಲಿ ಭಾಗವಹಿಸುವ ಯುವ ಮತದಾರರ ಪೈಕಿ 20ರಿಂದ 29ವರ್ಷ ವಯೋಮಾನದ ಅಂದಾಜು 19 ಕೋಟಿ 74 ಲಕ್ಷ ಮತದಾರರು ಪಾಲ್ಗೊಳ್ಳಲಿದ್ದಾರೆ. 18 ವರ್ಷಕ್ಕೆ ಮತದಾನದ ಹಕ್ಕು ದೊರೆಯುವುದಾದರೂ ಈಗ 17 ವರ್ಷ ತುಂಬಿರುವ ಯುವಜನ ಸಮೂಹದಿಂದ 13.4ಲಕ್ಷಕ್ಕೂ ಅಧಿಕ ಅರ್ಜಿಗಳನ್ನು ಮುಂಚಿತವಾಗಿಯೇ ಸ್ವೀಕರಿಸಲಾಗಿದೆ.
ಕೇಂದ್ರ ಚುನಾವಣಾ ಆಯೋಗ ಯುವ ಜನರಿಗೆ ಮತದಾನಕ್ಕೆ ಪ್ರೋತ್ಸಾಹ ನೀಡುವ ಸಲುವಾಗಿ ಸಚಿನ್ ತೆಂಡುಲ್ಕರ್ ಮತ್ತು ರಾಜಕುಮಾರ್ ರಾವ್ ಅವರಂತಹ ರಾಷ್ಟ್ರೀಯ ದಿಗ್ಗಜರಿಂದ ಸಂದೇಶಗಳನ್ನು ಪ್ರಸಾರ ಮಾಡುತ್ತಿದೆ. ಸಾಮಾಜಿಕ ಮಾಧ್ಯಮ ಅಭಿಯಾನಗಳು ಮತ್ತು ರೇಡಿಯೋ ಮೂಲಕವೂ ಸಂದೇಶಗಳನ್ನು ಪ್ರಸಾರ ಮಾಡಲಾಗುತ್ತದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಬೆಂಗಳೂರಿನಲ್ಲಿ ಬಿಜೆಪಿ ನೂತನ ಮಾಧ್ಯಮಕೇಂದ್ರ ಆರಂಭ
ಸುದ್ದಿದಿನ,ಬೆಂಗಳೂರು : ದಕ್ಷಿಣ ಭಾರತದಲ್ಲಿ ಭಾರತೀಯ ಜನತಾಪಕ್ಷಕ್ಕೆ, ಕರ್ನಾಟಕ ಹೆಬ್ಬಾಗಿಲಿನಂತಿದ್ದು, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಪಕ್ಷ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.
ಬರಲಿರುವ ಮಹಾಚುನಾವಣೆಗೆ ಪಕ್ಷದ ಕೇಂದ್ರಬಿಂದುವಾಗಿ ಕಾರ್ಯನಿರ್ವಹಿಸಲಿರುವ ನೂತನ ಮಾಧ್ಯಮ ಕೇಂದ್ರದಲ್ಲಿ ಪಕ್ಷದ ರಾಜ್ಯ ನಾಯಕರು ಇಂದು ಬೆಳಿಗ್ಗೆ ನಡೆಸಿದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ, ಜನಪರ ಆಡಳಿತ ನೀಡುವಲ್ಲಿ ಮತ್ತು ಬರಪರಿಸ್ಥಿತಿ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಆಪಾದಿಸಿದರು.
ಜನವಿರೋಧಿ ಕ್ರಮಗಳಿಂದಾಗಿ ರಾಜ್ಯದ ಜನತೆ ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.
ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಅತಿಹೆಚ್ಚು ಸ್ಥಾನಗಳನ್ನು ಗೆಲ್ಲುವ ಉದ್ದೇಶದಿಂದ ಕಾರ್ಯತಂತ್ರ ರೂಪಿಸಲು ತನ್ನ 200ಕ್ಕೂ ಹೆಚ್ಚು ಕಾರ್ಯಕರ್ತರಿಗೆ ಕಾರ್ಯಾಗಾರ ನಡೆಸಲು ಬಿಜೆಪಿ ನಿರ್ಧರಿಸಿದೆ. ಈ ನಡುವೆ ಲೋಕಸಭಾ ಚುನಾವಣೆ ಕುರಿತಂತೆ ದೆಹಲಿಯಲ್ಲಿ ಇಂದು ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿಯ ಸಭೆ ನಡೆಯಲಿದೆ.
ಚುನಾವಣೆಗೆ ಪಕ್ಷದ ಕಾರ್ಯತಂತ್ರಗಳನ್ನು ಕುರಿತು ಸಮಾಲೋಚಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಗೃಹ ಸಚಿವ ಅಮಿತ್ ಶಾ ಹಾಗೂ ಚುನಾವಣಾ ಸಮಿತಿಯ ಸದಸ್ಯರು ಮತ್ತಿತರ ಪದಾಧಿಕಾರಿಗಳು ಈ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
"ವಿಕಸಿತ ಭಾರತಕ್ಕಾಗಿ
ಮತ್ತೊಮ್ಮೆ ಮೋದಿ ಸರ್ಕಾರ"ಮಲ್ಲೇಶ್ವರಂನ ಜಿ.ಎಂ. ರಿಜಾಯ್ಸ್ ಹೋಟೆಲ್ನಲ್ಲಿ ಬಿಜೆಪಿ ಲೋಕಸಭಾ ಚುನಾವಣಾ 2024ರ ಮಾಧ್ಯಮ ಕೇಂದ್ರದ ಉದ್ಘಾಟನೆ ನೆರವೇರಿಸಲಾಯಿತು. ರಾಜ್ಯದೆಲ್ಲೆಡೆ ಪ್ರಧಾನಿ ಮೋದಿ ಜೀ ಅವರ ಪರವಾದ ಅಲೆ ವ್ಯಾಪಕವಾಗಿದ್ದು 'ಮೋದಿ ಮತ್ತೊಮ್ಮೆ' ಎಂಬುದು ಜನಸಾಮಾನ್ಯರ ಸಂಕಲ್ಪವಾಗಿದೆ. ದೇಶದಲ್ಲಿ 400 ಹಾಗೂ… pic.twitter.com/gYbNmo1Poo
— Vijayendra Yediyurappa (Modi Ka Parivar) (@BYVijayendra) March 23, 2024
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ನಾಯಕನ ಹಟ್ಟಿ | ಶ್ರೀಗುರು ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ವಿಶೇಷ ಬಸ್ ಸೌಲಭ್ಯ
-
ದಿನದ ಸುದ್ದಿ6 days ago
ಲೋಕಸಭಾ ಚುನಾವಣೆ : ಚುನಾವಣಾ ಚಟುವಟಿಕೆಗಳ ಕುರಿತ ಜಿಲ್ಲಾವಾರು ಮಾಹಿತಿ
-
ದಿನದ ಸುದ್ದಿ6 days ago
ವಿಜಯಪುರ ಜಿಲ್ಲಾ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಮೈಬೂಬಸಾಹೇಬ.ವೈ.ಜೆ ಆಯ್ಕೆ
-
ದಿನದ ಸುದ್ದಿ6 days ago
ಬೆಂಗಳೂರಿನಲ್ಲಿ ಬಿಜೆಪಿ ನೂತನ ಮಾಧ್ಯಮಕೇಂದ್ರ ಆರಂಭ
-
ದಿನದ ಸುದ್ದಿ5 days ago
ಲೋಕಸಭಾ ಚುನಾವಣೆ | ಹೊಸ ಮತದಾರರೆಷ್ಟು ಗೊತ್ತಾ..?
-
ದಿನದ ಸುದ್ದಿ5 days ago
ಕವಿತೆ | ನೆನಪು
-
ದಿನದ ಸುದ್ದಿ3 days ago
ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ
-
ದಿನದ ಸುದ್ದಿ2 days ago
ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ