ದಿನದ ಸುದ್ದಿ
ಲಜ್ಜೆಗೆಟ್ಟ ರಾಜಕಾರಣಕ್ಕೆ ಕರ್ನಾಟಕವೇ ತವರು..!
- ನಾ ದಿವಾಕರ
ಮೂರು ನಾಲ್ಕು ದಶಕಗಳ ಹಿಂದೆ ಉತ್ತರ ಭಾರತದ ಹಲವು ರಾಜ್ಯಗಳು ‘ ಆಯಾರಾಂ ಗಯಾರಾಂ ’ ಪಕ್ಷಾಂತರ ರಾಜಕಾರಣದಿಂದ ಕಲುಷಿತಗೊಂಡು ಕಂಗೆಟ್ಟಿದ್ದ ಸಂದರ್ಭದಲ್ಲಿ ಕರ್ನಾಟಕ ಮೌಲ್ಯಾಧಾರಿತ ರಾಜಕಾರಣಕ್ಕೆ ಹೆಸರಾಗಿತ್ತು. ಅಧಿಕಾರಸ್ಥ ರಾಜಕಾರಣಿಗಳ ಉತ್ತರದಾಯಿತ್ವದ ಪ್ರಜ್ಞೆ ಮತ್ತು ಕೊಂಚ ಮಟ್ಟಿನ ಪ್ರಾಮಾಣಿಕತೆ ರಾಜ್ಯ ರಾಜಕಾರಣದಲ್ಲಿ ಹೊಸ ಅಲೆ ಸೃಷ್ಟಿಸಿತ್ತು.
ಪಕ್ಷಾಂತರ, ಭಿನ್ನಮತೀಯ ರಾಜಕಾರಣ, ಪಕ್ಷಭೇದ ಮತ್ತು ಹೊಸ ಪಕ್ಷಗಳ ಸ್ಥಾಪನೆ ಇವೆಲ್ಲದರ ನಡುವೆಯೇ ರಾಜ್ಯದಲ್ಲಿ, ಅಧಿಕಾರ ಪೀಠದಲ್ಲಿರುವವರು ‘ ನೈತಿಕ ಹೊಣೆ ’ ಎನ್ನುವ ಪದಗಳ ಅರ್ಥವನ್ನು ಬಲ್ಲವರಾಗಿದ್ದರು. ಅಪವಾದಗಳಿಂದ ಮುಕ್ತವಾದ ರಾಜಕಾರಣ ಅಸಾಧ್ಯವೇ ಆದರೂ ತಮ್ಮ ಮೇಲಿನ ಅಪವಾದಗಳನ್ನು ಸ್ವೀಕರಿಸಿ, ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡುವ ಒಂದು ಪರಂಪರೆಗೆ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗ್ಗಡೆ ಸಾಕ್ಷಿಯಾಗಿದ್ದರು.
ಅಬ್ದುಲ್ ನಜೀರ್ ಸಾಬ್ ಅವರಂತಹ ನಿಸ್ಪೃಹ, ಪ್ರಾಮಾಣಿಕ, ಸರಳ ಸಜ್ಜನಿಕೆಯ ರಾಜಕಾರಣಿಯೊಬ್ಬರು ಈ ನೆಲದ ಮೇಲೆ ಓಡಾಡಿದ್ದರು ಎನ್ನುವುದು ಹೆಮ್ಮೆಯ ವಿಚಾರ. ಆದರೆ ಇಂತಹ ಒಂದು ವ್ಯಕ್ತಿತ್ವ ಕೇವಲ ಮೂರು ನಾಲ್ಕು ದಶಕಗಳ ಒಳಗೆ ಪ್ರಾಚೀನ ಶಿಲಾಶಾಸನದಂತೆ ಕಾಣುತ್ತಿರುವುದು ದುರಂತ.
ನಜೀರ್ ಸಾಬ್ ಮೂರು ನಾಲ್ಕು ಪೀಳಿಗೆಯ ರಾಜಕಾರಣಿಗಳಿಗೆ ಪ್ರೇರಣೆಯಾಗಬೇಕಿತ್ತು, ಸ್ಪೂರ್ತಿಯಾಗಬೇಕಿತ್ತು. ಆದರೆ ಅವರ ಒಡನಾಟದಲ್ಲಿದ್ದವರೂ ಇಂದು ಭ್ರಷ್ಟ ಮಾರ್ಗಗಳಲ್ಲಿ ನಡೆಯುತ್ತಿರುವುದನ್ನು ನೋಡಿದರೆ, ನವ ಉದಾರವಾದದ ಕಾರ್ಪೋರೇಟ್ ರಾಜಕಾರಣ ನಮ್ಮ ದೇಶದ ರಾಜಕೀಯ ವಾತಾವರಣವನ್ನು ಎಷ್ಟು ಕಲುಷಿತಗೊಳಿಸಿದೆ ಎಂದು ಅರ್ಥವಾಗುತ್ತದೆ.
ಭಾರತದ ರಾಜಕಾರಣದಲ್ಲಿ ಪ್ರಾಮಾಣಿಕತೆ ಮತ್ತು ಸತ್ಯಸಂಧತೆಯೂ ಇತ್ತು ಎನ್ನುವುದು ಬಹುಶಃ ಮುಂದಿನ ಪೀಳಿಗೆಗೆ ಪುರಾಣ ಕಥನದಂತೆ ಕಾಣುತ್ತದೆ. ನಿಜ, ದೇಶ ಬದಲಾಗಿದೆ, ಜನರೂ ಬದಲಾಗಿದ್ದಾರೆ, ಹಾಗೆಯೇ ರಾಜಕಾರಣಿಗಳೂ ಬದಲಾಗಿದ್ದಾರೆ. ಆದರೆ ರಾಜಕೀಯ ರಂಗದಲ್ಲಿ ಉಂಟಾಗಿರುವ ಬದಲಾವಣೆ ದೇಶವನ್ನು ವಿನಾಶದತ್ತ ಕೊಂಡೊಯ್ಯುವಂತೆ ಕಾಣುತ್ತಿದೆ.
ಪಂಚಾಯತ್ ವ್ಯವಸ್ಥೆಗೆ ಒಂದು ಸ್ಪಷ್ಟ ಕಾಯಕಲ್ಪ ನೀಡಿದ ಕರ್ನಾಟಕದಲ್ಲಿ ನಾವು ಗ್ರಾಮ ಪಂಚಾಯತ್ ಸ್ಥಾನಗಳು ಹರಾಜಾಗುತ್ತಿರುವುದನ್ನು ಇತ್ತೀಚೆಗಷ್ಟೇ ನೋಡಿದ್ದೇವೆ. ಜನಪ್ರತಿನಿಧಿ ಎನ್ನುವ ಪದ ಅಧಿಕಾರ ಕೇಂದ್ರಗಳಲ್ಲಿ ತಮ್ಮ ಅಸ್ತಿತ್ವವನ್ನು ಕಳೆದುಕೊಂಡು ಹರಾಜು ಮಾರುಕಟ್ಟೆಯಲ್ಲಿ ಬಿಕರಿಯಾಗುತ್ತಿರುವ ಒಂದು ವಿಕೃತ ಪರಂಪರೆಗೆ ಕರ್ನಾಟಕವೇ ಪ್ರಧಾನ ಭೂಮಿಕೆಯಾಗಿರುವುದು ವಿಪರ್ಯಾಸ ಎನಿಸಿದರೂ ಸತ್ಯ.
ತತ್ವ, ಸಿದ್ಧಾಂತ ಮತ್ತು ಜನಸೇವೆ ಈ ಮೂರೂ ಉದಾತ್ತ ಚಿಂತನೆಗಳಿಗೆ ಎಂದೋ ತಿಲಾಂಜಲಿ ಕೊಟ್ಟಿರುವ ರಾಜ್ಯ ರಾಜಕಾರಣದಲ್ಲಿ ಇಂದು ಉಳಿದಿರುವುದು ಅಧಿಕಾರ ರಾಜಕಾರಣ ಮಾತ್ರ ಎನ್ನುವುದೂ ಅಷ್ಟೇ ಸತ್ಯ. ಏಕೆಂದರೆ ನವ ಉದಾರವಾದ ಮತ್ತು ಹಣಕಾಸು ಬಂಡವಾಳ ಊರ್ಜಿತವಾಗಲು ಬೇಕಿರುವುದು ಒಂದು ಪ್ರಬಲ ಸರ್ಕಾರ ಮತ್ತು ಶಿಥಿಲ ವಿರೋಧ.
ರಾಷ್ಟ್ರ ಮಟ್ಟದಲ್ಲಿ ಮತ್ತು ರಾಜ್ಯ ಮಟ್ಟದಲ್ಲಿ ಇದನ್ನು ಸಾಧಿಸಲಾಗಿದೆ. ಹಾಗಾಗಿಯೇ ರಾಜ್ಯದ ರೈತರ ಪಾಲಿಗೆ ಮರಣಶಾಸನವಾಗಲಿರುವ ಕೃಷಿ ಮಸೂದೆ, ಎಪಿಎಂಸಿ ಕಾಯ್ದೆಯ ತಿದ್ದುಪಡಿ, ಭೂ ಸ್ವಾಧೀನ ಕಾಯ್ದೆಯ ತಿದ್ದುಪಡಿ ಮತ್ತು ಗೋಹತ್ಯೆ ನಿಷೇಧ ಕಾಯ್ದೆಗಳ ವಿರುದ್ಧ ಒಂದು ಪ್ರಬಲ ರಾಜಕೀಯ ಹೋರಾಟ ರೂಪುಗೊಳ್ಳುತ್ತಿಲ್ಲ.
ಗೋಮಾಂಸ ಸೇವನೆಯ ಹಕ್ಕು ಬಾಧ್ಯತೆಗಳನ್ನು ಕುರಿತು ನಡೆಯುತ್ತಿರುವಷ್ಟು ರಾಜಕೀಯ ಚರ್ಚೆಗಳು, ವಾಗ್ವಾದಗಳು, ಗೋ ಹತ್ಯೆ ನಿಷೇಧದಿಂದ ರೈತಾಪಿಯ ಮೇಲೆ ಉಂಟಾಗುವ ವ್ಯತಿರಿಕ್ತ ಪರಿಣಾಮಗಳ ಬಗ್ಗೆ ನಡೆಯುತ್ತಿಲ್ಲ ಎನ್ನುವುದನ್ನೂ ಗಮನಿಸಬೇಕಿದೆ.
ಭೂ ಸ್ವಾಧೀನ ಕಾಯ್ದೆಯ ತಿದ್ದುಪಡಿಯಿಂದ ಕೃಷಿ ಭೂಮಿ ಉದ್ಯಮಿಗಳ ವಶವಾಗುವ ಅಪಾಯವನ್ನು ರೈತ ಸಂಘಟನೆಗಳು ಗ್ರಹಿಸಿವೆಯಾದರೂ, ರಾಜ್ಯದ ವಿರೋಧ ಪಕ್ಷಗಳು ಒಂದು ಸ್ಪಷ್ಟ ನಿಲುವು ತಳೆಯುವಲ್ಲಿ ವಿಫಲವಾಗಿವೆ. ಮಣ್ಣಿನ ಮಕ್ಕಳ ಪಕ್ಷ ಎಂಬ ಹೆಗ್ಗಳಿಕೆಯೊಂದಿಗೇ ತನ್ನ ಅಸ್ತಿತ್ವ ಉಳಿಸಿಕೊಂಡಿರುವ ಜಾತ್ಯತೀತ ಜನತಾ ದಳ ಭೂ ಸ್ವಾಧೀನ ಕಾಯ್ದೆಯ ತಿದ್ದುಪಡಿಗೆ ಬೆಂಬಲ ವ್ಯಕ್ತಪಡಿಸಿದೆ. ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಮಸೂದೆಗಳ ಬಗ್ಗೆ ಮೌನ ವಹಿಸಿದೆ.
ಈ ನಡುವೆಯೇ ಕರ್ನಾಟಕದ ರಾಜಕಾರಣ ಅಕ್ಷರಶಃ ಹರಾಜು ಮಾರುಕಟ್ಟೆಯಂತಾಗಿರುವುದನ್ನು ಗಂಭೀರವಾಗಿ ಪರಿಗಣಿಸಬೇಕಿದೆ. ಇತ್ತೀಚಿನ ಕೆಲವು ಬೆಳವಣಿಗೆಗಳು ಈ ಮಾರುಕಟ್ಟೆ ರಾಜಕಾರಣವನ್ನು ನಡುಬೀದಿಯಲ್ಲಿ ಬೆತ್ತಲಾಗಿ ನಿಲ್ಲಿಸಿಬಿಟ್ಟಿದೆ.
2008ರ ನಂತರದಲ್ಲಿ ನವ ಉದಾರವಾದಿ ಮಾರುಕಟ್ಟೆ ವ್ಯವಸ್ಥೆ ಜಾಗತಿಕ ಮಟ್ಟದಲ್ಲಿ ಎದುರಿಸಿದ ಬಿಕ್ಕಟ್ಟಿಗೂ, ಭಾರತದ ರಾಜಕಾರಣದಲ್ಲಿ ಕಾರ್ಪೋರೇಟ್ ಔದ್ಯಮಿಕ ಹಿತಾಸಕ್ತಿಗಳ ನೇರ ಪಾಲ್ಗೊಳ್ಳುವಿಕೆಗೂ ನೇರ ಸಂಬಂಧ ಇರುವುದನ್ನು ಈ ಮಾರುಕಟ್ಟೆ ರಾಜಕಾರಣದಲ್ಲಿ ಗುರುತಿಸಬಹುದು. ಪಕ್ಷಾಂತರ ನಿಷೇಧ ಕಾಯ್ದೆ ಮತ್ತು ಸಾಂವಿಧಾನಿಕ ನಿಯಮ, ಬದ್ಧತೆಗಳನ್ನು ಗಾಳಿಗೆ ತೂರಿ ರಾಜಕೀಯ ಪಕ್ಷಗಳು ಶಾಸಕರನ್ನು ಖರೀದಿಸಲು ಮುಂದಾಗಿದ್ದೂ ಸಹ ಈ ಬಿಕ್ಕಟ್ಟಿನ ನಂತರದಲ್ಲೇ ಎನ್ನುವುದನ್ನೂ ಗಮನಿಸಬೇಕು.
ಜನಸಾಮಾನ್ಯರು ಸುಸ್ಥಿರ ಸರ್ಕಾರ ಬಯಸುತ್ತಾರೆ, ಸುಭದ್ರ ಆಡಳಿತ ಅಪೇಕ್ಷಿಸುತ್ತಾರೆ ಆದರೆ ಒಂದೇ ಪಕ್ಷದ ಸ್ಪಷ್ಟ ಬಹುಮತದ ರಾಜಕೀಯ ಅಧಿಕಾರ ಜನಾಭಿಪ್ರಾಯದ ಒತ್ತಾಸೆಯಲ್ಲ. ಇದು ಮಾರುಕಟ್ಟೆಯ ಅನಿವಾರ್ಯತೆ. ಈ ಅನಿವಾರ್ಯತೆಯನ್ನು ಜನಾಭಿಪ್ರಾಯವಾಗಿ ರೂಪಿಸುವ ಹೊಣೆಯನ್ನು ಕಾರ್ಪೋರೇಟ್ ನಿಯಂತ್ರಿತ ಸುದ್ದಿ ಮಾಧ್ಯಮಗಳು ವಹಿಸಿಕೊಂಡಿವೆ.
ಇದರ ಪರಿಣಾಮ, ಕರ್ನಾಟಕದಲ್ಲಿ ‘ ಅನರ್ಹರ ರಾಜಕಾರಣ ’ ಎನ್ನುವ ಹೊಸ ಪರಿಕಲ್ಪನೆ ಹುಟ್ಟಿಕೊಂಡಿದೆ. ಒಂದು ಪಕ್ಷದಿಂದ ಆಯ್ಕೆಯಾಗಿ, ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು, ಅನರ್ಹ ಪಟ್ಟ ಪಡೆದು, ಅನರ್ಹರಾಗಿಯೇ ಮತ್ತೊಂದು ಪಕ್ಷದಿಂದ ಚುನಾವಣೆಗೆ ಸ್ಪರ್ಧಿಸಿ ಅಧಿಕಾರ ಪೀಠಕ್ಕೆ ಸನಿಹವಾಗುವ ಒಂದು ಅನಿಷ್ಟ ಪರಂಪರೆಗೆ ರಾಜ್ಯದ ಹಲವು ಅನುಭವಿ ರಾಜಕಾರಣಿಗಳೇ ಸ್ಪಷ್ಟ ಬುನಾದಿ ಹಾಕಿರುವುದು ದುರಂತವಾದರೂ ಸತ್ಯ. ಈ ಬೆಳವಣಿಗೆಯ ಹಿಂದೆ ಮಾರುಕಟ್ಟೆಯ ಶಕ್ತಿ ಇರುವುದನ್ನು ನಿರ್ಲಕ್ಷಿಸಲಾಗುವುದಿಲ್ಲ.
ಈ ನಡುವೆಯೇ ರಾಜ್ಯದ ಲಜ್ಜೆಗೆಟ್ಟ ರಾಜಕಾರಣ ಪರಾಕಾಷ್ಠೆ ತಲುಪಿದೆ. 17 ಮಂದಿ ಅನರ್ಹ ಶಾಸಕರ ಬಲದಿಂದ ಸರ್ಕಾರ ರಚಿಸಿದ ಬಿಜೆಪಿ ಮತ್ತು ತಮ್ಮ ರಾಜಕೀಯ ಅಸ್ತಿತ್ವಕ್ಕಾಗಿ ಅಸ್ಮಿತೆಗಳನ್ನೂ ಮಾರಿಕೊಂಡು ಬಿಕರಿಯಾಗಿರುವ ಶಾಸಕರು ರಾಜ್ಯ ಶಾಸನಸಭೆಯನ್ನು ತರಕಾರಿ ಮಾರುಕಟ್ಟೆಯಂತೆ ಬಳಸುತ್ತಿದ್ದಾರೆ. ಸಚಿವ ಪದವಿ, ನಿಗಮ ಮಂಡಲಿ ಅಧ್ಯಕ್ಷ ಪದವಿ ಇಲ್ಲದೆ ಹೋದರೆ ಈ ಜನ ನಾಯಕರ ಜನಸೇವೆಯೇ ಸ್ಥಗಿತವಾಗಿಬಿಡುತ್ತದೆ.
‘ಜನಸೇವೆಯೇ ಜನಾರ್ಧನ ಸೇವೆ’ ಎನ್ನುವ ಘೋಷವಾಕ್ಯ ಎಂದೋ ಮೂಲೆಗೆ ಸೇರಿದ್ದು ಇಂದು ಧನಾರ್ಜನೆಯೇ ಜನಸೇವೆಯ ಗುರಿಯಾಗಿರುವುದು ಸ್ಪಷ್ಟ. ಗ್ರಾಮಪಂಚಾಯತ್ ಮಟ್ಟದಲ್ಲಿ ಸ್ಥಾನಗಳೇ ಹರಾಜು ಹಾಕಲ್ಪಟ್ಟರೆ, ರಾಜ್ಯ ಸರ್ಕಾರದಲ್ಲಿ ಸಚಿವ ಪದವಿ ಹರಾಜು ಹಾಕಲಾಗುತ್ತಿದೆ. ಒಂದು ರಹಸ್ಯ ಸಿ ಡಿ ಇಡೀ ರಾಜ್ಯ ರಾಜಕಾರಣವನ್ನು ಬೆತ್ತಲಾಗಿಸುತ್ತಿದೆ. ಶಾಸಕರನ್ನು ಖುಲ್ಲಂಖುಲ್ಲಾ ಖರೀದಿಸುವ ಪ್ರಕ್ರಿಯೆಗೆ ಆಪರೇಷನ್ ಕಮಲ ಹೆಸರಿನಲ್ಲಿ ಚಾಲನೆ ನೀಡಿದ ಬಿಜೆಪಿಯ ನಾಯಕತ್ವ ಇಂದಿನ ಹದಗೆಟ್ಟ ಪರಿಸ್ಥಿಗೆ ಸಂಪೂರ್ಣ ಹೊಣೆ ಹೊರಬೇಕಿದೆ.
17 ಶಾಸಕರನ್ನು ಬಿಜೆಪಿಗೆ ತರಲು ನೂತನ ಸಚಿವ ಯೋಗೇಶ್ವರ್ 9 ಕೋಟಿ ರೂ ಸಾಲ ಮಾಡಿದ್ದಾರೆ ಎಂದು ಮತ್ತೋರ್ವ ಮಾಜಿ ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಅಂದರೆ ಈ ಶಾಸಕರ ನಿಷ್ಠೆಯನ್ನು ಖರೀದಿಸಲು ಹಣಕಾಸು ವ್ಯವಹಾರ ನಡೆದಿದೆ ಎನ್ನುವುದು ಸ್ಪಷ್ಟವಾಗುತ್ತದೆ. 9 ಕೋಟಿ ರೂ ಸಾಲ ಮಾಡುವ ವ್ಯಕ್ತಿ 90 ಕೋಟಿ ರೂ ಖರ್ಚು ಮಾಡುವ ಸಾಮರ್ಥ್ಯ ಹೊಂದಿರುತ್ತಾನೆ.
ಪ್ರಜಾತಂತ್ರ ವ್ಯವಸ್ಥೆಯಲ್ಲಿ ಜನರು ನಿಷ್ಠೆಯಿಂದ ಪವಿತ್ರ ಮತ ಚಲಾಯಿಸುವ ಮೂಲಕ ಆಯ್ಕೆ ಮಾಡಿ ಶಾಸನಸಭೆಗೆ ಕಳುಹಿಸುವ ಶಾಸಕರು ಈ ರೀತಿ ಬಿಕರಿಯಾಗುವುದೇ ಪ್ರಜಾತಂತ್ರ ಮೌಲ್ಯಗಳಿಗೆ ಅಪಚಾರ ಎಸಗಿದಂತಲ್ಲವೇ ? ಈ ಕನಿಷ್ಠ ಪ್ರಜ್ಞೆ ರಾಜಕಾರಣಿಗಳಲ್ಲಿ ಇರುವುದಿಲ್ಲ ಏಕೆಂದರೆ ಅವರ ದೃಷ್ಟಿ ಅಧಿಕಾರ ಪೀಠದ ಮೇಲಿರುತ್ತದೆ. ಆದರೆ ಪ್ರಜ್ಞಾವಂತ ನಾಗರಿಕರಲ್ಲಿ ಈ ಪ್ರಜ್ಞೆ ಇರಬೇಕಲ್ಲವೇ ?
ಮುಖ್ಯಮಂತ್ರಿ ಯಡಿಯೂರಪ್ಪ ಬ್ಲಾಕ್ಮೇಲ್ ರಾಜಕಾರಣಕ್ಕೆ ಬಲಿಯಾಗಿದ್ದಾರೆ ಎಂದು ನಿರೂಪಿಸಲು ತಮ್ಮ ಬಳಿ ಇರುವ ರಹಸ್ಯ ಸಿ ಡಿ ಒಂದನ್ನು ಗುರಾಣಿಯಂತೆ ಬಳಸುತ್ತಿರುವ ಬಸನಗೌಡ ಪಾಟಿಲ್ ಯತ್ನಾಳ್ ಅವರಿಗೆ ಸಂವಿಧಾನ ಮತ್ತು ಸಾಂವಿಧಾನಿಕ ಮೌಲ್ಯಗಳ ಬಗ್ಗೆ ಕಿಂಚಿತ್ತಾದರೂ ಗೌರವ ಇದ್ದಿದ್ದಲ್ಲಿ ಈ.
ಸಿ ಡಿಯನ್ನು ಎಂದೋ ಸಾರ್ವಜನಿಕರ ಮುಂದೆ ಬಹಿರಂಗಪಡಿಸುತ್ತಿದ್ದರು. ತಮ್ಮ ಸ್ವಾರ್ಥ ಸಾಧನೆಗೆ ‘ಯಾರೂ ನೋಡಲಾಗದಂತಹ’ ಸಿ ಡಿ ಒಂದನ್ನು ಅಸ್ತ್ರವನ್ನಾಗಿ ಬಳಸುವುದು ಹೊಲಸು ರಾಜಕಾರಣವಲ್ಲವೇ ? ಒಂದು ವೇಳೆ ಯತ್ನಾಳ್ ಅವರ ಬೇಡಿಕೆಗಳು ಈಡೇರಿದರೆ ಈ
ಸಿ ಡಿಯಲ್ಲಿ ಇರಬಹುದಾದ ಅವ್ಯವಹಾರಗಳ ದಾಖಲೆಗಳು ಶಾಶ್ವತವಾಗಿ ಭೂಗತವಾಗಿಬಿಡುತ್ತವೆ ಅಲ್ಲವೇ ?
ಸಿ ಡಿ ರಾಜಕಾರಣ, ರೆಸಾರ್ಟ್ ರಾಜಕಾರಣ ಮತ್ತು ಬ್ಲಾಕ್ಮೇಲ್ ರಾಜಕಾರಣ ಈ ಮೂರೂ ವಿದ್ಯಮಾನಗಳ ಹಿಂದೆ ಕಾರ್ಪೋರೇಟ್ ಬಂಡವಾಳ, ಕರಾಳ ದಂಧೆಯ ಕಪ್ಪುಹಣ ಮತ್ತು ಮಾರುಕಟ್ಟೆ ಮಾಫಿಯಾದ ಛಾಯೆ ಇರುವುದನ್ನು ಗಮನಿಸದೆ ಹೋದರೆ ಬಹುಶಃ ಮುಂದಿನ ದಿನಗಳಲ್ಲಿ ಚುನಾವಣೆಗಳೇ ಒಂದು ಹಾಸ್ಯ ಪ್ರಹಸನವಾಗಿಬಿಡುತ್ತದೆ. ಇಡೀ ಪ್ರಜಾತಂತ್ರ ವ್ಯವಸ್ಥೆಯನ್ನು ಮಾರುಕಟ್ಟೆ ಶಕ್ತಿಗಳು ಆಕ್ರಮಿಸುತ್ತವೆ.
ಜನರು ಜನಪ್ರತಿನಿಧಿಗಳಿಗೆ ಮತ ನೀಡಿದರೆ, ಧನಿಕರು ಧನಪ್ರತಿನಿಧಿಗಳನ್ನು ಶಾಸನ ಸಭೆಗಳಿಗೆ ಕಳಿಸುತ್ತಾರೆ. ಏಕಂದರೆ ಹಣಕಾಸು ಬಂಡವಾಳಿಗರ ಹೂಡಿಕೆಗೆ ವಂದಿಮಾಗಧರ ಬೃಹತ್ ಪಡೆಯ ಅವಶ್ಯಕತೆ ಇರುತ್ತದೆ. ಕೇಂದ್ರ ಸರ್ಕಾರದ ಕೃಷಿ ಮಸೂದೆಗಳು ಇದಕ್ಕೊಂದು ಸ್ಪಷ್ಟ ಉದಾಹರಣೆ. 101 ರೈತರ ಸಾವಿಗೆ ಕನಿಷ್ಠ ಅನುಕಂಪ ತೋರುವುದಕ್ಕೂ ಮುಂದಾಗದ ನರೇಂದ್ರ ಮೋದಿ ಸರ್ಕಾರ ಮಾರುಕಟ್ಟೆ ಶಕ್ತಿಗಳ ಕಬಂಧ ಬಾಹುಗಳಲ್ಲಿ ಸಿಲುಕುವ ಒಂದು ಚುನಾಯಿತ ಸರ್ಕಾರ ಹೇಗಿರುತ್ತದೆ ಎನ್ನುವುದನ್ನು ನಿರೂಪಿಸಿದೆ.
ಈ ಹಿನ್ನೆಲೆಯಲ್ಲೇ ಕರ್ನಾಟಕದ ಇತ್ತೀಚಿನ ರಾಜಕೀಯ ಬೆಳವಣಿಗೆಗಳನ್ನು ಗಮನಿಸಬೇಕಿದೆ. ಮೊದಲು ಶಾಸಕರಲ್ಲಿ ಎರಡೇ ಪ್ರಭೇದಗಳಿದ್ದವು. ಹಾಲಿ ಮತ್ತು ಮಾಜಿ. ಈಗ ಅರ್ಹ-ಅನರ್ಹ, ಸಂತೃಪ್ತ-ಅತೃಪ್ತ, ಮೂಲ-ವಲಸಿಗ ಹೀಗೆ ಹಲವು ಪ್ರಭೇದಗಳು ಹುಟ್ಟಿಕೊಂಡಿವೆ.
ಈ ಗೊಂದಲದ ನಡುವೆ ‘ ಪ್ರಾಮಾಣಿಕ ಶಾಸಕ ’ ರ ಸಂತತಿಯೇ ನಶಿಸುತ್ತಿದೆ. ‘ ಜನಪರ ಕಾಳಜಿ ’ ಮತ್ತು ‘ ಜನ ಸೇವೆ ’ ಎಂಬ ಪರಿಕಲ್ಪನೆಗಳು ಹರಾಜು ಮಾರುಕಟ್ಟೆಯಲ್ಲಿ ಬಿಕರಿಯಾಗುವ ಕಚ್ಚಾ ವಸ್ತುಗಳಾಗಿದ್ದು, ಇವೆರಡರ ಪರಿವೆಯೇ ಇಲ್ಲದ ನಾಯಕರಿಗೆ ಮಾರುಕಟ್ಟೆಯಲ್ಲಿ ಅತಿ ಹೆಚ್ಚು ಬೆಲೆ ನಿಗದಿಯಾಗುತ್ತದೆ. 17 ಶಾಸಕರನ್ನು ಒಂದುಗೂಡಿಸಲು 9 ಕೋಟಿ ರೂ ಖರ್ಚು ಮಾಡುವ ಒಂದು ವ್ಯವಸ್ಥೆಗೆ ಇದೂ ಒಂದು ಕಾರಣ.
ಕೆಂಗಲ್ ಹನುಮಂತಯ್ಯನವರಿಂದ ಜೆ ಹೆಚ್ ಪಟೇಲ್ ವರೆಗಿನ ಒಂದು ರಾಜಕೀಯ ಪರಂಪರೆ ಪ್ರಾಚೀನ ವ್ಯವಸ್ಥೆಯ ಪಳೆಯುಳಿಕೆಯಂತೆ ಕಂಡುಬಂದರೆ, ಈ ಅಧಃಪತನದ ಹಿಂದೆ ಮಾರುಕಟ್ಟೆ ಬಂಡವಾಳ ಮತ್ತು ಅಧಿಕಾರ ರಾಜಕಾರಣದ ಹಂಬಲ ಪ್ರಬಲ ಶಕ್ತಿಗಳಾಗಿ ಕಂಡುಬರುತ್ತವೆ.
ಈ ನಡುವೆ ರಾಜ್ಯ ರಾಜಕಾರಣದಲ್ಲಿ ಸದಾ ಕೇಳಿಬರುತ್ತಿದ್ದ ಮೌಲ್ಯ, ತತ್ವ , ಸಿದ್ಧಾಂತ ಮತ್ತು ಸಾಂವಿಧಾನಿಕ ಬದ್ಧತೆ ಮುಂತಾದ ಪದಗಳು ಇತಿಹಾಸದ ಕಸದಬುಟ್ಟಿ ಸೇರಿಬಿಟ್ಟಿವೆ. ಈ ಹೊಲಸು ರಾಜಕಾರಣಕ್ಕೆ ಕರ್ನಾಟಕವೇ ತವರು ಎನ್ನುವುದು ಚರಿತ್ರೆಯ ದೊಡ್ಡ ದುರಂತ. ಆದರೆ ಇದು ವಾಸ್ತವ.
ಈ ಪರಿಸ್ಥಿತಿಗೆ ಯಾರು ಕಾರಣ ? ಪ್ರಜ್ಞೆ ಕಳೆದುಕೊಂಡಿರುವ ನಾಗರಿಕರೋ ಸ್ವಂತಿಕೆ ಕಳೆದುಕೊಂಡಿರುವ ರಾಜಕಾರಣಿಗಳೋ ? ನಜೀರ್ ಸಾಬ್ ಕೇಳ್ತಿದಾರೆ, ಉತ್ತರ ಕೊಡಿ !
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಾಠಾಧೀಶರ ಮೇಲೆ ಹಲ್ಲೆ ; ನಿರ್ಲಕ್ಷಿಸಿದರೆ ದುಷ್ಕೃತ್ಯ ಹೆಚ್ಚಳ ಸಂಭವ; ಕಠಿಣ ಕ್ರಮಕ್ಕೆ ಎಚ್.ಆಂಜನೇಯ ಆಗ್ರಹ
ಸುದ್ದಿದಿನ,ಚಿತ್ರದುರ್ಗ: ಹರಳಯ್ಯ ಮಠದ ಸ್ವಾಮೀಜಿ ಮೇಲೆ ಮಾರಾಣಾಂತಿಕ ಹಲ್ಲೆಯನ್ನು ನಿರ್ಲಕ್ಷ್ಯ ವಹಿಸಿದರೆ ಮುಂದಿನ ದಿನಗಳಲ್ಲಿ ಮಠಾಧೀಶರ ಮೇಲೆ ಇಂತಹ ದುಷ್ಕೃತ್ಯ ಹೆಚ್ಚಾಗಬಹುದು ಎಂದು ಮಾಜಿ ಸಚಿವ ಎಚ್.ಆಂಜನೇಯ ಆತಂಕ ವ್ಯಕ್ತಪಡಿಸಿದ್ದಾರೆ.
ಎಸಿ, ತಹಸೀಲ್ದಾರ್, ಪೊಲೀಸ್ ಅಧಿಕಾರಿಗಳು, ಗ್ರಾಮದ ಮುಖಂಡರೊಂದಿಗೆ ಐಮಂಗಲ ಸಮೀಪದ ಹರಳಯ್ಯ ಮಠಕ್ಕೆ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿ, ಚಿತ್ರದುರ್ಗ ಜಿಲ್ಲಾಸ್ಪತ್ರೆ ಬಳಿಕ ಮಠಕ್ಕೆ ಶ್ರೀಗಳು ಬಂದಿದ್ದಾರೆಂದು ಭಾವಿಸಿ ಧೈರ್ಯ ಹೇಳಲು ಬಂದಿದ್ದೇನೆ. ಆದರೆ, ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿರುವುದು ಅವರ ಆರೋಗ್ಯ ಸ್ಥಿತಿ ಕುರಿತು ಕಳವಳ ವ್ಯಕ್ತವಾಗಿದೆ ಎಂದರು.
ಮುರುಘ ಮಠದ ಡಾ. ಶ್ರೀ ಶಿವಮೂರ್ತಿ ಮುರುಘ ಶರಣರು ಎಲ್ಲ ಶೋಷಿತ, ದಲಿತ, ಹಿಂದುಳಿದ ವರ್ಗಗಳಿಗೆ ಧಾರ್ಮಿಕ ಸ್ಥಾನ ನೀಡಲು ಹಲವರಿಗೆ ದೀಕ್ಷೆ ನೀಡಿ, ಜಮೀನು ಸೇರಿ ಅಗತ್ಯ
ಸಹಕಾರ ನೀಡಿದ್ದು ಸ್ಮರಣೀಯ. ಆ ಸಂದರ್ಭದಲ್ಲಿ ಹರಳಯ್ಯ ಮಠ ಸ್ಥಾಪನೆಗಾಗಿ ಜಮೀನು ಖರೀದಿಸಲು ಹಣ ಕೊಟ್ಟಿದ್ದರು. ಆ ಹಣದಲ್ಲಿ ಭೂಮಿ ಖರೀದಿಸಿ ಮಠ, ಶಾಲೆ ನಿರ್ಮಿಸಲು ಬಸವ ಹರಳಯ್ಯ ಸ್ವಾಮೀಜಿ ಶ್ರಮಿಸಿ ಸಾಧನೆ ಮಾಡಿದ್ದಾರೆ ಎಂದು ತಿಳಿಸಿದರು.
ಮಠ-ಮಾನ್ಯಗಳು ಮಾಡಬೇಕಾದ ಕಾರ್ಯವನ್ನು ಅತ್ಯಂತ ಶ್ರದ್ಧೆ, ಸವಾಲುಗಳ ಮಧ್ಯೆ, ಹಗಲು-ರಾತ್ರಿ ಶ್ರಮಪಟ್ಟು ಹರಳಯ್ಯ ಸ್ವಾಮೀಜಿ ಮಾಡಿದ್ದಾರೆ. ಸಮಾಜ ಕಲ್ಯಾಣ
ಸಚಿವನಾಗಿದ್ದ ವೇಳೆ 1 ಕೋಟಿ ರೂ. ಅನುದಾನ ಕೊಡಿದ್ದೇ. ಬಳಿಕ ಅಸ್ಥಿತ್ವಕ್ಕೆ ಬಂದ ಸರ್ಕಾರ ಹಾಗೂ ಭಕ್ತರು, ಜನರಿಗೆ ದೇಣಿಗೆ ಸಂಗ್ರಹಿಸಿ ಭವ್ಯವಾದ ಮಠ ನಿರ್ಮಿಸಿದ್ದಾರೆ.
ಸುತ್ತಮುತ್ತಲ ಬಡ ಮಕ್ಕಳಿಗಾಗಿ ಶಾಲೆ, ಸತ್ ಚಿಂತನೆ ಮೂಡಿಸಲು ಧಾರ್ಮಿಕ ಕಾರ್ಯಕ್ಕಾಗಿ ಸಭಾಂಗಣ ನಿರ್ಮಿಸಿದ್ದಾರೆ ಎಂದರು.
ಈ ಸಂದರ್ಭ ತಗ್ಗುಗುಂಡಿ ಆಗಿದ್ದ ಅನುಪಯುಕ್ತ ಎರಡು ಗುಂಟೆ ಜಮೀನು ಗೊಂದಲದಿಂದ ಒತ್ತುವರಿ ಆಗಿದೆ. ಈ ವಿಷಯಕ್ಕಾಗಿ ಹಲವು ಬಾರಿ ವ್ಯಕ್ತಿಯೊರ್ವ ಗಲಾಟೆ ಮಾಡಿದ್ದಾನೆ. ಗೊತ್ತಿಲ್ಲದೆ ಎರಡು ಗುಂಟೆ ಜಾಗ ಒತ್ತುವರಿ ಆಗಿದ್ದು, ತಪ್ಪು ನನ್ನಿಂದಲೇ ಆಗಿದೆಯೆಂದು ಶ್ರೀಗಳು ಒಪ್ಪಿಕೊಂಡಿದ್ದಾರೆ. ಜತೆಗೆ ಆ ಜಾಗಕ್ಕೆ ಈಗಿನ ಮಾರುಕಟ್ಟೆ ಮೌಲ್ಯದಷ್ಟು ಹಣ ಕೊಡುತ್ತೇನೆ ಎಂದು ತಿಳಿಸಿದ್ದಾರೆ. ವ್ಯಕ್ತಿ ನಿರಾಕರಿಸಿದಾಗ ಒತ್ತುವರಿ ಜಾಗದಲ್ಲಿ ಕಟ್ಟಿದ್ದ ಕಾಂಪೌಂಡನ್ನು ಸ್ವಾಮೀಜಿ ಕೆಡವಿಸಿದ್ದಾರೆ. ಆದರೂ ಆ ವ್ಯಕ್ತಿ ದ್ವೇಷ ಮುಂದುವರಿಸಿದ್ದು ಏಕಾಏಕಿ ಮಠಕ್ಕೆ ನುಗ್ಗಿ ಸ್ವಾಮೀಜಿ ಮೇಲೆ
ಮಾರಾಣಾಂತಿಕ ಹಲ್ಲೆ ನಡೆಸಿದ್ದು, ದೂರು ಕೊಡಲು ಠಾಣೆಗೆ ತೆರಳಿರುವ ವಿಷಯ ತಿಳಿದು ಅಲ್ಲಿಗೆ ತೆರಳಿ ಕಾಲಿನಿಂದ ಸ್ವಾಮೀಜಿ ಎದೆಗೆ ಒದ್ದಿದ್ದಾನೆ ಎಂದರು.
ಧಾರ್ಮಿಕ ನೇತಾರರನ್ನು ಗೌರವಿಸುವ ನಾಡು ಭಾರತ. ಇಂತಹ ಸಂದರ್ಭ ಖಾವಿಧಾರಿಯೊಬ್ಬರ ಮೇಲೆ ಮಾರಾಣಾಂತಿಕವಾಗಿ ಹಲ್ಲೆ ನಡೆಸಿ, ಅವ್ಯಾಚ್ಯ ಶಬ್ದಗಳಿಂದ ನಿಂಧಿಸಿರುವುದು ಎಚ್ಚರಿಕೆ
ಗಂಟೆಯಾಗಿದೆ. ಈ ದುಷ್ಕೃತ್ಯವನ್ನು ನಾಡಿನ ಎಲ್ಲ ಮಠಾಧೀಶರು ಖಂಡಿಸಬೇಕು, ಸ್ವಾಮೀಜಿಗೆ ನೈತಿಕವಾಗಿ ಬೆಂಬಲಿಸಬೇಕು. ಇಲ್ಲದಿದ್ದರೇ ಇಂತಹ ಕೃತ್ಯಗಳು ಹೆಚ್ಚಾಗುವ ಸಾಧ್ಯತೆ ಎಂದು ಆತಂಕ ವ್ಯಕ್ತಪಡಿಸಿದರು.
ಹಲ್ಲೆ ನಡೆಸಿದ ಮೂವರನ್ನು ಮಟ್ಟಹಾಕುವ ಶಕ್ತಿ ನಮ್ಮಲ್ಲೂ ಇದೆ. ಆದರೆ, ನಾವು ವಾಮಮಾರ್ಗದಲ್ಲಿ ಸಾಗುವವರಲ್ಲ, ಕಾನೂನು ಪರಿಪಾಲಕರು. ನಮ್ಮ ಹಕ್ಕೋತ್ತಾಯ ಬಸವ
ತತ್ವದಡಿ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಸ್ವಾಮೀಜಿ ಮೇಲೆ ಮಾರಾಣಾಂತಿಕ ಹಲ್ಲೆ ಭೀತಿ ಹುಟ್ಟಿಸುವಂತದ್ದಾಗಿದೆ. ಈ ಕುರಿತು ತಕ್ಷಣವೇ ಎಲ್ಲ ಮಠಾಧೀಶರು, ಧರ್ಮಗಳ ಪ್ರತಿಪಾದಕರು ಖಂಡಿಸಬೇಕು ಎಂದು ಕೋರಿದರು.
ಈಗ ಯಾವುದೇ ಕಾರಣಕ್ಕೂ ಸಂಧಾನ-ಚರ್ಚೆ ಅಗತ್ಯವಿಲ್ಲ. ಮಠದ ಸಾಮಾಜಿಕ ಕಾರ್ಯಕ್ಕಾಗಿ ಸರ್ಕಾರ ಭೂಮಿ ಸ್ವಾಧೀನಪಡಿಸಿಕೊಳ್ಳಬೇಕು. ಅದಕ್ಕೆ ತಗಲುವ ವೆಚ್ಚವನ್ನು ನಾನೇ ಸ್ವಂತವಾಗಿ ಭರಿಸುತ್ತೇನೆ. ತಕ್ಷಣ ಅಧಿಕಾರಿಗಳು ಈ ಸಂಬಂಧ ಕಾರ್ಯಪ್ರವೃತ್ತರಾಗಬೇಕೆಂದು ಆಂಜನೇಯ ಆಗ್ರಹಿಸಿದರಲ್ಲದೇ ಒಂದು ವೇಳೆ ಭೂಮಿ ಯಾರದ್ದಾಗಿದ್ದರೇ ಅವರಿಗೆ ನ್ಯಾಯಯುತವಾಗಿ ಸಲ್ಲಬೇಕಾದ ಪರಿಹಾರ ನೀಡಬಹುದು. ಈ ನಿಟ್ಟಿನಲ್ಲಿ ನಾನು ತಗಲುವ ಸಂಪೂರ್ಣ ವೆಚ್ಚ ಭರಿಸುವೆ ಎಂದು ತಿಳಿಸಿದರು.
ಐಮಂಗಲ ಸುತ್ತಮುತ್ತಲ ಗ್ರಾಮಗಳ ಬಡ ಮಕ್ಕಳಿಗೆ ಶಿಕ್ಷಣ ನೀಡುವುದು, ಅನಾಥಾಲಯ ಸ್ಥಾಪನೆಯ ಸದುದ್ದೇಶ ಹೊಂದಿರುವ ಶ್ರೀಗಳ ಮೇಲೆ ಹಲ್ಲೆ ಇಡೀ ಧಾರ್ಮಿಕ ಮುಖಂಡರಿಗೆ ಮಾಡಿರುವ ಅಪಮಾನ ಮತ್ತು ಅವರಲ್ಲಿ ಭೀತಿ ಸೃಷ್ಠಿಸುವಂತದ್ದಾಗಿದೆ. ಆದ್ದರಿಂದ ಮಾರಾಣಾಂತಿಕ ಹಲ್ಲೆ ನಡೆಸಿದ ವ್ಯಕ್ತಿಗಳನ್ನು ತಕ್ಷಣವೇ ರಾಜ್ಯದಿಂದಲೇ ಗಡಿಪಾರು ಮಾಡಬೇಕು. ಜೊತೆಗೆ ಕಠಿಣ ಶಿಕ್ಷೆ ಆಗುವ ರೀತಿ ಕಾನೂನು ಪ್ರಕ್ರಿಯೆ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಎಸಿ ಕಾಂತರಾಜ್, ಡಿವೈಎಸ್ಪಿ ಶಿವಕುಮಾರ್, ಸಿಪಿಐ ಗುಡ್ಡಪ್ಪ ಹಾಗೂ ಗ್ರಾಮದ ಹಿರಿಯರು
ಉಪಸ್ಥಿತರಿದ್ದರು.
*ಪೋಟೊ ಕ್ಯಾಪ್ಷನ್* ಐಮಂಗಲದ ಹರಳಯ್ಯ ಗುರುಪೀಠಕ್ಕೆ ಶುಕ್ರವಾರ ಸಂಜೆ ಮಾಜಿಸಚಿವ ಎಚ್.ಆಂಜನೇಯ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದರು.

ದಿನದ ಸುದ್ದಿ
ದಾವಣಗೆರೆ | ತಾಪಂ ಅನುದಾನ ದುರುಪಯೋಗ: ಮೂವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ತನಿಖೆ ಚುರುಕು
ಮುಖ್ಯಾಂಶಗಳು
ಟೆಂಡರ್ ಇಲ್ಲದೆ ಸಾಮಗ್ರಿ ಖರೀದಿ ಆರೋಪ
ಜುಲೈ 10ರ ವರೆಗೆ ಸ್ಥಳ ಪರಿಶೀಲನೆ, ದಾಖಲೆಗಳ ತಪಾಸಣೆ
ತನಿಖಾಧಿಕಾರಿಗಳ ಮುಂದೆ ಹಾಜರಾಗಲು ದೂರುದಾರರಿಗೆ ನೋಟಿಸ್
ಸುದ್ದಿದಿನ,ದಾವಣಗೆರೆ: ತಾಲೂಕು ಪಂಚಾಯಿತಿಯ 2022-23ನೇ ಸಾಲಿನ ಅನಿರ್ಬಂಧಿತ ಅನುದಾನದಡಿ ಕೈಗೊಳ್ಳಲಾದ ವಿವಿಧ ಕಾಮಗಾರಿಗಳ ಖರೀದಿ ವ್ಯವಹಾರದಲ್ಲಿ ನಿಯಮ ಉಲ್ಲಂಘಿಸಿ, ಸರ್ಕಾರಿ ಹಣ ದುರುಪಯೋಗಪಡಿಸಿಕೊಂಡಿರುವ ಗಂಭೀರ ಆರೋಪದ ಬೆನ್ನತ್ತಿರುವ ಲೋಕಾಯುಕ್ತ ಸಂಸ್ಥೆಯು ತನಿಖೆಯನ್ನು ತೀವ್ರಗೊಳಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತದ ತಾಂತ್ರಿಕ ಮತ್ತು ಲೆಕ್ಕಪತ್ರ ಶಾಖೆಯ ಅಧಿಕಾರಿಗಳು ಜುಲೈ 7 ರಿಂದ 10 ರವರೆಗೆ ಜಿಲ್ಲೆಯಲ್ಲಿ ಬೀಡುಬಿಡಲಿದ್ದು, ಸ್ಥಳ ತನಿಖೆ ಹಾಗೂ ದಾಖಲೆಗಳ ಪರಿಶೀಲನೆ ನಡೆಸಲಿದ್ದಾರೆ.
ನಿಯಮ ಗಾಳಿಗೆ: ‘ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ– ಕರ್ನಾಟಕ’ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ. ಕೆ.ಎ. ಓಬಳೇಶ್ ಅವರು 2025ರ ಜನೆವರಿ 21ರಂದು ಲೋಕಾಯುಕ್ತಕ್ಕೆ ಈ ಕುರಿತು ಅಧಿಕೃತ ದೂರು ನೀಡಿದ್ದರು. 2022-23ನೇ ಸಾಲಿನಲ್ಲಿ ದಾವಣಗೆರೆ ತಾಲೂಕು ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದ ವಿವಿಧ ಯೋಜನೆಗಳ ಕಾಮಗಾರಿಗಳಿಗೆ ಸಾಮಗ್ರಿಗಳನ್ನು ಖರೀದಿಸುವಾಗ ಯಾವುದೇ ಟೆಂಡರ್ ಪ್ರಕ್ರಿಯೆ ನಡೆಸಿಲ್ಲ. ಅಧಿಕೃತ ಮಾರಾಟಗಾರರಿಂದ ದರಪಟ್ಟಿ (ಕೊಟೇಷನ್) ಪಡೆಯದೆ, ನಿಯಮಾವಳಿಗಳನ್ನು ಸಂಪೂರ್ಣವಾಗಿ ಗಾಳಿಗೆ ತೂರಿ ಸರ್ಕಾರದ ಹಣ ಪೋಲು ಮಾಡಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.
ತನಿಖೆ ಎದುರಿಸುತ್ತಿರುವವರು
ಶ್ರೀ ಎನ್.ಜೆ. ಆನಂದ್, ಕಾರ್ಯನಿರ್ವಾಹಕ ಅಧಿಕಾರಿ (ಇಒ), ತಾಲೂಕು ಪಂಚಾಯಿತಿ, ದಾವಣಗೆರೆ.
ಶ್ರೀ ನಾಗರಾಜ್ ನಾಯ್ಕ್, ಸಹಾಯಕ ಲೆಕ್ಕಾಧಿಕಾರಿ, ತಾಲೂಕು ಪಂಚಾಯಿತಿ, ದಾವಣಗೆರೆ.
ಶ್ರೀ ಚನ್ನಪ್ಪ ಎ., ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ), ಜಿಲ್ಲಾ ಪಂಚಾಯತ್, ದಾವಣಗೆರೆ.
ಕಚೇರಿಯಲ್ಲಿ ತಪಾಸಣೆ
ದೂರಿನ ಅನ್ವಯ ಲೋಕಾಯುಕ್ತದ ತಾಂತ್ರಿಕ ಮತ್ತು ಲೆಕ್ಕಪತ್ರ ಶಾಖೆಯ ತನಿಖಾಧಿಕಾರಿ ಟಿ.ಸಿ. ಜಯರಾಮಯ್ಯ ಅವರು ತನಿಖಾ ವೇಳಾಪಟ್ಟಿ ಸಿದ್ಧಪಡಿಸಿದ್ದಾರೆ. ಜುಲೈ 7 ರಂದು ಬೆಳಗ್ಗೆ 11.30ಕ್ಕೆ ದಾವಣಗೆರೆ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ತನಿಖಾ ಪ್ರಕ್ರಿಯೆ ಆರಂಭವಾಗಿದ್ದು, ಜುಲೈ 10 ರವರೆಗೆ ಸರಣಿ ದಾಖಲೆಗಳ ಪರಿಶೀಲನೆ ನಡೆಯಲಿದೆ. ಸ್ಥಳ ತನಿಖೆಯ ಸಂದರ್ಭದಲ್ಲಿ ಖುದ್ದಾಗಿ ಹಾಜರಿದ್ದು, ಪೂರಕ ದಾಖಲೆಗಳೊಂದಿಗೆ ಸಹಕರಿಸುವಂತೆ ದೂರುದಾರರಿಗೂ ನೋಟಿಸ್ ನೀಡಲಾಗಿದೆ.
ಜಿಲ್ಲೆಯ ಪ್ರಭಾವಿ ಅಧಿಕಾರಿಗಳೇ ಲೋಕಾಯುಕ್ತ ತನಿಖೆಯ ಬಿಸಿಗೆ ಸಿಲುಕಿರುವುದು ಆಡಳಿತ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮತದಾರರ ಪಟ್ಟಿ ಪರಿಷ್ಕರಣೆ | ಪ್ರತಿಯೊಬ್ಬರ ಮನೆಬಾಗಿಲಿಗೆ ತಲುಪಲಿವೆ ಫಾರಂಗಳು ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ
ಸುದ್ದಿದಿನ,ದಾವಣಗೆರೆ: ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕವಾಗಿ ಮತ್ತು ವ್ಯವಸ್ಥಿತವಾಗಿ ನಡೆಸಲಾಗುತ್ತಿದ್ದು, ಸಾರ್ವಜನಿಕರು ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಅವರು ತಿಳಿಸಿದರು.
ಅವರು ಸೋಮವಾರ, ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕುರಿತು ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಜಿಲ್ಲೆಯಲ್ಲಿ ಎಲ್ಲೂ ಕೂಡ ಸಾಮೂಹಿಕವಾಗಿ ಫಾರಂ ವಿತರಣೆ ಮಾಡುತ್ತಿಲ್ಲ ಮತ್ತು ಮಾಡುವುದೂ ಇಲ್ಲ, ಕೆಲವು ಬೂತ್ಗಳಲ್ಲಿ ಸಾರ್ವಜನಿಕರೇ ಗುಂಪುಗೂಡಿ ಇಲ್ಲೇ ಫಾರಂ ನೀಡಿ ಎಂದು ಕೇಳಿರುವ ಉದಾಹರಣೆಗಳು ಇವೆಯೇ ಹೊರತು, ಇಲಾಖೆಯಿಂದ ಸಾಮೂಹಿಕ ವಿತರಣೆ ನಡೆದಿಲ್ಲ ಎಂದರು.
ಪ್ರತಿಯೊಬ್ಬ ಬೂತ್ ಮಟ್ಟದ ಅಧಿಕಾರಿಗಳಿಗೆ ಈಗಾಗಲೇ ಲಿಖಿತ ಸೂಚನೆ ಹಾಗೂ ಸೂಕ್ತ ತರಬೇತಿಯನ್ನು ನೀಡಲಾಗಿದೆ. ಅವರು ಕಡ್ಡಾಯವಾಗಿ ಪ್ರತಿಯೊಬ್ಬರ ಮನೆ ಮನೆಗೆ ಭೇಟಿ ನೀಡಿ ಫಾರಂಗಳನ್ನು ವಿತರಿಸುವರು. ಭೇಟಿ ನೀಡಿದ ನಂತರ ಮನೆಯ ಬಾಗಿಲಿನ ಮೇಲೆ ಕಡ್ಡಾಯವಾಗಿ ಸ್ಟಿಕ್ಕರ್ ಅಂಟಿಸಬೇಕೆಂದು ಆದೇಶಿಸಲಾಗಿದೆ. ಹಳ್ಳಿಗಳಲ್ಲಿ ಹಾಗೂ ಕೆಲವು ಕಡೆ ಸಾರ್ವಜನಿಕರು ತಮ್ಮ ಫಾರಂಗಳನ್ನು ಬೇಗ ಮಾಡಿಕೊಡಿ ಎಂದು ಬಿ.ಎಲ್.ಓಗಳ ಬಳಿ ಗುಂಪುಗೂಡುತ್ತಿರುವುದು ಕಂಡುಬಂದಿದೆ. ಆದರೆ, ಇನ್ನು ಮುಂದೆ ಹೀಗಾಗದಂತೆ ಎಚ್ಚರಿಕೆ ವಹಿಸಲು ನಮ್ಮ ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಗೂ ಸಂಪೂರ್ಣ ತಂಡವು ಬಿ.ಎಲ್.ಓ.ಗಳಿಗೆ ನೆರವಾಗಲಿದ್ದಾರೆ ಎಂದು ತಿಳಿಸಿದರು.
ಸಾರ್ವಜನಿಕರ ಅನುಕೂಲಕ್ಕಾಗಿ ದಕ್ಷಿಣ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಒಟ್ಟು 40 ಸಹಾಯ ಕೇಂದ್ರಗಳನ್ನು ತೆರೆಯಲಾಗಿದೆ. ಸಾರ್ವಜನಿಕರು ನೇರವಾಗಿ ಈ ಸಹಾಯ ಕೇಂದ್ರಗಳಿಗೆ ಭೇಟಿ ನೀಡಿ ತಮ್ಮ ಫಾರಂಗಳನ್ನು ಭರ್ತಿ ಮಾಡಿಕೊಳ್ಳಬಹುದು. ಭರ್ತಿ ಮಾಡಿದ ಫಾರಂಗಳನ್ನು ಕಡ್ಡಾಯವಾಗಿ ಬಿ.ಎಲ್.ಓ.ಗಳಿಗೆ ಹಸ್ತಾಂತರಿಸಬೇಕು ಎಂದರು
ರಾಷ್ಟ್ರೀಯ ಪಕ್ಷಗಳಿಂದ ನೇಮಕಗೊಂಡಿರುವ ಬಿ.ಎಲ್.ಎ (ಬೂತ್ ಮಟ್ಟದ ಏಜೆಂಟ್ಗಳು) ಸಾರ್ವಜನಿಕರಿಗೆ ಫಾರಂ ಭರ್ತಿ ಮಾಡಲು ಸಹಾಯ ಮಾಡಬಹುದು. ಅವರು ಮೊದಲ ಹಂತದಲ್ಲಿ ತಲಾ 50 ಫಾರಂಗಳನ್ನು ಸಂಗ್ರಹಿಸಿ, ಭರ್ತಿ ಮಾಡಿ ನಮ್ಮ ಬಿ.ಎಲ್.ಓ.ಗಳಿಗೆ ತಂದುಕೊಡಲು ಅವಕಾಶ ಕಲ್ಪಿಸಲಾಗಿದೆ. ಇದು ಗುಂಪಾಗಿ ಮಾಡುವುದಲ್ಲ, ಬದಲಿಗೆ ಮನೆ ಮನೆಗೆ ಹೋಗಿ ಬಿ.ಎಲ್.ಓಗಳ ಸಹಯೋಗದೊಂದಿಗೆ ಮಾಡುವ ಕಾರ್ಯವಾಗಿದೆ ಎಂದರು.
ಸಹಿ ಮಾಡುವ ಪ್ರಕ್ರಿಯೆಯು ಮತದಾರರದ್ದೇ ಆಗಿರುತ್ತದೆ. ಮೊಬೈಲ್ ಬಳಸಲು ಬಾರದ ಅನಕ್ಷರಸ್ಥರಿಗೆ ಅಥವಾ ತಾಂತ್ರಿಕ ತೊಂದರೆ ಇರುವವರಿಗೆ ಬಿ.ಎಲ್.ಓ ಹಾಗೂ ಬಿ.ಎಲ್.ಎ.ಗಳು ಸಹಾಯ ಮಾಡಲಿದ್ದಾರೆ. ಭಾರತೀಯ ಚುನಾವಣಾ ಆಯೋಗದ ನಿರ್ದೇಶನದ ಅಡಿಯಲ್ಲೇ ನಮ್ಮ ಇಡೀ ತಂಡ ಕೆಲಸ ಮಾಡುತ್ತಿದೆ ಎಂದರು.
ಒಂದೇ ಕ್ಷೇತ್ರದ ವ್ಯಾಪ್ತಿಯಲ್ಲಿ ಮನೆ ಶಿಫ್ಟ್ ಮಾಡಿಕೊಂಡಿರುವ ಮತದಾರರು, ತಮ್ಮ ಹೆಸರು ಕೈಬಿಟ್ಟು ಹೋಗುವ ಆತಂಕ ಪಡಬೇಕಾಗಿಲ್ಲ. ಅಂತಹ ಮತದಾರರು ‘ಫಾರಂ-8’ ಅನ್ನು ಸಲ್ಲಿಸುವ ಮೂಲಕ ತಮ್ಮ ವಿಳಾಸವನ್ನು ಸುಲಭವಾಗಿ ಬದಲಾಯಿಸಿಕೊಳ್ಳಬಹುದು ಎಂದರು.
ಈಗಾಗಲೇ ಮ್ಯಾಪಿಂಗ್ ಆಗಿರುವ ಮತದಾರರು ಯಾವುದೇ ದಾಖಲೆಗಳನ್ನು ನೀಡುವ ಅಗತ್ಯವಿರುವುದಿಲ್ಲ. ಒಂದು ವೇಳೆ ತಪ್ಪಾಗಿ ಮ್ಯಾಪಿಂಗ್ ಆಗಿದ್ದರೆ ಅಥವಾ ತಂದೆ-ತಾಯಿಯ ಹೆಸರುಗಳಲ್ಲಿ ತಪ್ಪುಗಳಾಗಿದ್ದರೆ, 2002ರ ಹಳೆಯ ವೋಟರ್ ಐಡಿ ವಿವರಗಳ ಆಧಾರದ ಮೇಲೆ ಬಿ.ಎಲ್.ಓ ಮೊಬೈಲ್ ಆಪ್ (BLO Mobile App) ಮೂಲಕ ತಿದ್ದುಪಡಿ ಹಾಗೂ ವರ್ಗಾವಣೆಗೆ ಅವಕಾಶ ಮಾಡಿಕೊಡಲಾಗಿದೆ ಎಂದು ತಿಳಿಸಿದರು.
18 ವರ್ಷ ತುಂಬಿರುವ ಅರ್ಹ ಯುವ ಮತದಾರರು ಹೊಸದಾಗಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ನಿಗದಿಪಡಿಸಿದ ಫಾರಂಗಳನ್ನು ಪಡೆದು ಭರ್ತಿ ಮಾಡಬಹುದಾಗಿದೆ. ಇದಕ್ಕಾಗಿ ಸಾರ್ವಜನಿಕರು ಯಾರೂ ಮತಗಟ್ಟೆಗಳನ್ನಾಗಲಿ ಅಥವಾ ಬಿ.ಎಲ್.ಓಗಳನ್ನಾಗಲಿ ಹುಡುಕಿಕೊಂಡು ಹೋಗುವ ಅಗತ್ಯವಿಲ್ಲ, ನಾವೇ ನಿಮ್ಮ ಮನೆ ಬಾಗಿಲಿಗೆ ಬರುತ್ತೇವೆ ಎಂದು ತಿಳಿಸಿದರು.
ಅನಾಥಾಶ್ರಮಗಳಲ್ಲಿರುವ ಹಾಗೂ ತಂದೆ-ತಾಯಿಯರ ಮಾಹಿತಿ ಇಲ್ಲದವರಿಗೂ ಸಹ ಮತದಾನದ ಹಕ್ಕನ್ನು ಕಲ್ಪಿಸಲು ಚುನಾವಣಾ ಆಯೋಗವು ವಿಶೇಷ ಕ್ರಮ ಕೈಗೊಂಡಿದೆ. ಸರ್ಕಾರಿ ಅನಾಥಾಶ್ರಮವೊಂದರಲ್ಲಿರುವ 43 ಯುವಕರು 2025ನೇ ಇಸವಿಯಲ್ಲೂ ಮತದಾರರ ಪಟ್ಟಿಯಲ್ಲಿದ್ದಾರೆ. ಇಂತಹ ಸಂದರ್ಭಗಳಲ್ಲಿ ಸರ್ಕಾರವೇ ಅವರಿಗೆ ಪೋಷಕರಾಗಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರೆ ಅವರ ಅಧಿಕೃತ ಪೋಷಕರಾಗಿರುತ್ತಾರೆ ಎಂದರು.
ದೇವದಾಸಿಯರಂತಹ ಪ್ರಕರಣಗಳಲ್ಲಿ ತಂದೆಯ ವಿವರಗಳು ಲಭ್ಯವಿಲ್ಲದಿದ್ದರೆ, ತಾಯಿಯ ವಿವರಗಳನ್ನು ನೀಡಿ ಹೆಸರು ನಮೂದಿಸಲು ಅವಕಾಶವಿದೆ. ಇನ್ನು ಕೆಲವು ಸಂದರ್ಭಗಳಲ್ಲಿ ತಂದೆ-ತಾಯಿ ಇಬ್ಬರೂ ಇಲ್ಲದಿದ್ದರೆ, ಅಂತವರು ತಮ್ಮ ಅಜ್ಜ ಅಥವಾ ಅಜ್ಜಿಯ ಹೆಸರನ್ನು ಸಂಬಂಧದ ಕಾಲಂನಲ್ಲಿ ನಮೂದಿಸಿ ಗುರುತಿಸಿಕೊಳ್ಳಲು ಅವಕಾಶ ಮಾಡಿಕೊಡಲಾಗಿದೆ ಎಂದು ತಿಳಿಸಿದರು.
ಚುನಾವಣಾ ಆಯೋಗವು ಇಂತಹ ಎಲ್ಲಾ ಸವಾಲುಗಳಿಗೂ ಕಾನೂನಾತ್ಮಕವಾಗಿ ಹಾಗೂ ecinet ಮೊಬೈಲ್ ಆಪ್ ಮತ್ತು https://voters.eci.gov.in ಮೂಲಕ ಸೂಕ್ತ ಪರಿಹಾರವನ್ನು ಕಲ್ಪಿಸಿದೆ. ಹೀಗಾಗಿ ಯಾವುದೇ ಮತದಾರರು ಆತಂಕ ಪಡುವ ಅಗತ್ಯವಿಲ್ಲ. ಬಿ.ಎ.ಲ್.ಓ ಗಳು ಮನೆಗೆ ಬಂದಾಗ ಅಥವಾ ದೂರವಾಣಿ ಮೂಲಕ ಸಂಪರ್ಕಿಸಿದಾಗ ಸಾರ್ವಜನಿಕರು ಸ್ಪಂದಿಸಿ, ಮಾಹಿತಿ ನೀಡಬೇಕು ಎಂದು ತಿಳಿಸಿದರು.
ಫಾರಂ ಹಂಚಿಕೆಯಲ್ಲಿ ರಾಜ್ಯದಲ್ಲೇ ದಾವಣಗೆರೆ ಜಿಲ್ಲೆಗೆ 2ನೇ ಸ್ಥಾನ; ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ
ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯು ಅತ್ಯಂತ ಯಶಸ್ವಿಯಾಗಿ ಪ್ರಗತಿಯಲ್ಲಿದ್ದು, ಜಿಲ್ಲಾದ್ಯಂತ ಒಟ್ಟಾರೆ ಶೇ. 94 ರಷ್ಟು ಎನ್ಯುಮರೇಷನ್ ಫಾರ್ಮ್ಗಳನ್ನು (Enumeration Forms) ಫಾರಂಗಳನ್ನು ಹಂಚಿಕೆ ಮಾಡುವ ಮೂಲಕ ದಾವಣಗೆರೆ ಜಿಲ್ಲೆಯು ರಾಜ್ಯದಲ್ಲಿಯೇ 2ನೇ ಸ್ಥಾನ ಪಡೆದು ಅಭೂತಪೂರ್ವ ಸಾಧನೆ ಮಾಡಿದೆ. ಇದೇ ವೇಳೆ ಜಿಲ್ಲೆಯ ಮಾಯಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಶೇ. 99.81 ರಷ್ಟು ದಾಖಲೆ ಪ್ರಮಾಣದ ಎನ್ಯುಮರೇಷನ್ ಫಾರ್ಮ್ಗಳನ್ನು (Enumeration Forms) ಪಾರಂಗಳನ್ನು ಅತ್ಯಂತ ಯಶಸ್ವಿಯಾಗಿ ಹಂಚಿಕೆ ಮಾಡಲಾಗಿದ್ದು, ಇಡೀ ರಾಜ್ಯದಲ್ಲಿಯೇ ಪ್ರಥಮ ಸ್ಥಾನವನ್ನು ಮುಡಿಗೇರಿಸಿಕೊಂಡಿದೆ. ಹಾಗೂ ಶೇ. 10.8 ರಷ್ಟು ಗಣಕೀಕರಣವಾಗಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಮನೆ ಮನೆ ಭೇಟಿ ಹಾಗೂ ಮಾಹಿತಿ ಸಂಗ್ರಹ ಪ್ರಗತಿಯಲ್ಲಿ
ದಾವಣಗೆರೆ ಜಿಲ್ಲೆಯಲ್ಲಿ ಜೂನ್ 16 ರ ವೇಳೆಗೆ ಒಟ್ಟು 14,99,282 ಮತದಾರರಿದ್ದು, ಇವರಿಗೆ ಸಂಬಂಧಿಸಿದ ಎನ್ಯುಮರೇಷನ್ ಫಾರ್ಮ್ಗಳನ್ನು (Enumeration Forms) ಮುದ್ರಿಸಿ ಬಿಎಲ್ಓಗಳಿಗೆ ವಿತರಿಸಲಾಗಿದೆ. ಜಿಲ್ಲಾದ್ಯಂತ ಜೂನ್ 06 ರಿಂದ ಜುಲೈ 29 ರ ಅವಧಿಯಲ್ಲಿ ಬಿಎಲ್ಓಗಳು ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುತ್ತಿದ್ದು, ಇದೇ ಅವಧಿಯಲ್ಲಿ ಸಂಗ್ರಹಿಸಿದ ನಮೂನೆಗಳ ಗಣಕೀಕರಣ ಕಾರ್ಯವೂ ಪ್ರಗತಿಯಲ್ಲಿದೆ.
ವಿಧಾನಸಭಾ ಕ್ಷೇತ್ರವಾರು ಹಂಚಿಕೆ ಮತ್ತು ಪ್ರಗತಿ ವಿವರ
ಜಿಲ್ಲೆಯ ಒಟ್ಟು 14,99,282 ಮತದಾರರ ಪೈಕಿ ಬಿಎಲ್ಓಗಳು ಇದುವರೆಗೆ ಒಟ್ಟು 14,06,472 ಎನ್ಯುಮರೇಷನ್ ನಮೂನೆಗಳನ್ನು ವಿತರಿಸಿದ್ದು, 1,54,504 ನಮೂನೆಗಳನ್ನು ಗಣಕೀಕರಿಸಿದ್ದಾರೆ.
103-ಜಗಳೂರು: ಒಟ್ಟು 2,00,836 ಮತದಾರರಿದ್ದು, 1,88,446 ನಮೂನೆಗಳನ್ನು ವಿತರಿಸಲಾಗಿದ್ದು, 18,003 ನಮೂನೆಗಳನ್ನು ಗಣಕೀಕರಿಸಲಾಗಿದೆ. 105-ಹರಿಹರ: ಒಟ್ಟು 2,11,023 ಮತದಾರರಿದ್ದು, 2,06,550 ನಮೂನೆಗಳನ್ನು ವಿತರಿಸಲಾಗಿದ್ದು, 32,630 ನಮೂನೆಗಳನ್ನು ಗಣಕೀಕರಿಸಲಾಗಿದೆ. 106-ದಾವಣಗೆರೆ ಉತ್ತರ: ಒಟ್ಟು 2,58,718 ಮತದಾರರಿದ್ದು, 2,44,948 ನಮೂನೆಗಳನ್ನು ವಿತರಿಸಲಾಗಿದ್ದು, 7,120 ನಮೂನೆಗಳನ್ನು ಗಣಕೀಕರಿಸಲಾಗಿದೆ. 107-ದಾವಣಗೆರೆ ದಕ್ಷಿಣ : ಒಟ್ಟು 2,27,996 ಮತದಾರರಿದ್ದು, 194,785 ನಮೂನೆಗಳನ್ನು ವಿತರಿಸಲಾಗಿದ್ದು, 5,085 ನಮೂನೆಗಳನ್ನು ಗಣಕೀಕರಿಸಲಾಗಿದೆ. 108-ಮಾಯಕೊಂಡ: ಒಟ್ಟು 197,048 ಮತದಾರರಿದ್ದು, 196,486 ನಮೂನೆಗಳನ್ನು ವಿತರಿಸಲಾಗಿದ್ದು, 42,785 ನಮೂನೆಗಳನ್ನು ಗಣಕೀಕರಿಸಲಾಗಿದೆ. 109-ಚನ್ನಗಿರಿ ಒಟ್ಟು 2,03,628 ಮತದಾರರಿದ್ದು, 192,838 ನಮೂನೆಗಳನ್ನು ವಿತರಿಸಲಾಗಿದ್ದು, 36,531 ನಮೂನೆಗಳನ್ನು ಗಣಕೀಕರಿಸಲಾಗಿದೆ. 110- ಹೊನ್ನಾಳಿ ಒಟ್ಟು 2,00,033 ಮತದಾರರಿದ್ದು, 182,419 ನಮೂನೆಗಳನ್ನು ವಿತರಿಸಲಾಗಿದ್ದು, 12,350 ನಮೂನೆಗಳನ್ನು ಗಣಕೀಕರಿಸಲಾಗಿದೆ.
ಸ್ಥಳಾಂತರ, ಮರಣ ಹಾಗೂ ದ್ವಿಪ್ರತಿ ಮತದಾರರ ಗುರುತಿಸುವಿಕೆ ಪ್ರಗತಿ
ಜೂನ್ 6 ರಿಂದ ಜಿಲ್ಲೆಯಲ್ಲಿ ಮತದಾರರ ಎನ್ಯುಮರೇಷನ್ ಫಾರ್ಮ್ಸ್ ಹಂಚಿಕೆ ಹಾಗೂ ಮಾಹಿತಿ ಸಂಗ್ರಹಣೆಯ ವೇಳೆ ಒಟ್ಟು 1,707 ವಿವಿಧ ಪ್ರಕರಣಗಳನ್ನು ಗುರುತಿಸಲಾಗಿದೆ. ಇದರಲ್ಲಿ ಒಟ್ಟು 30 ನಮೂನೆಗಳು ಸಂಗ್ರಹವಾಗದ/ಗೈರು ಹಾಜರಿ ಪ್ರಕರಣಗಳಾಗಿದ್ದು, 641 ಶಾಶ್ವತ ವಲಸೆ, 751 ಮರಣ ಹಾಗೂ 271 ದ್ವಿಪ್ರತಿ (Duplicate) ಪ್ರಕರಣಗಳಾಗಿವೆ.
ಜಗಳೂರು ಕ್ಷೇತ್ರದಲ್ಲಿ 122 ಪ್ರಕರಣಗಳನ್ನು ಗುರುತಿಸಲಾಗಿದ್ದು (2 ಗೈರು, 31 ಶಾಶ್ವತ ವಲಸೆ, 47 ಮರಣ, 40 ದ್ವಿಪ್ರತಿ, 2 ಇತರೆ), ಹರಿಹರ ಕ್ಷೇತ್ರದಲ್ಲಿ 149 ಪ್ರಕರಣಗಳು (2 ಗೈರು, 48 ಶಾಶ್ವತ ವಲಸೆ, 71 ಮರಣ, 26 ದ್ವಿಪ್ರತಿ, 2 ಇತರೆ), ದಾವಣಗೆರೆ ಉತ್ತರ ಕ್ಷೇತ್ರದಲ್ಲಿ 246 ಪ್ರಕರಣಗಳು (5 ಗೈರು, 98 ಶಾಶ್ವತ ವಲಸೆ, 112 ಮರಣ, 31 ದ್ವಿಪ್ರತಿ), ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ 235 ಪ್ರಕರಣಗಳು (6 ಗೈರು, 123 ಶಾಶ್ವತ ವಲಸೆ, 60 ಮರಣ, 44 ದ್ವಿಪ್ರತಿ, 2 ಇತರೆ), ಮಾಯಕೊಂಡ ಕ್ಷೇತ್ರದಲ್ಲಿ 337 ಪ್ರಕರಣಗಳು (4 ಗೈರು, 113 ಶಾಶ್ವತ ವಲಸೆ, 174 ಮರಣ, 45 ದ್ವಿಪ್ರತಿ,1 ಇತರೆ), ಚನ್ನಗಿರಿ ಕ್ಷೇತ್ರದಲ್ಲಿ 386 ಪ್ರಕರಣಗಳು (10 ಗೈರು, 139 ಶಾಶ್ವತ ವಲಸೆ, 167 ಮರಣ, 63 ದ್ವಿಪ್ರತಿ, 7 ಇತರೆ) ಹಾಗೂ ಹೊನ್ನಾಳಿ ಕ್ಷೇತ್ರದಲ್ಲಿ ಒಟ್ಟು 232 ಪ್ರಕರಣಗಳ (1 ಗೈರು, 89 ಶಾಶ್ವತ ವಲಸೆ, 120 ಮರಣ, 22 ದ್ವಿಪ್ರತಿ) ಗುರುತಿಸಿದೆ ಎಂದು ತಿಳಿಸಿದರು.
ಪತ್ರಿಕಾ ಗೋಷ್ಠಿಗೂ ಮುನ್ನ ವಿವಿಧ ರಾಷ್ಟ್ರೀಯ ಪಕ್ಷಗಳೊಂದಿಗೆ ಸಭೆ ನಡೆಸಿದ್ದು, ರಾಷ್ಟ್ರೀಯ ಪಕ್ಷಗಳು ಮತದಾರರ ಪಟ್ಟಿ ಪರಿಷ್ಕರಣೆಗೆ ಬಿ.ಎಲ್.ಎ ಗಳನ್ನು ನೇಮಕ ಮಾಡಿದ್ದು ಎನ್ಯುಮರೇಷನ್ ಫಾರ್ಮ್ಗಳನ್ನು (Enumeration Forms) ಪಾರಂಗಳನ್ನು ನಮೂದಿಸಿ ಬಿ.ಎಲ್.ಓ ಗಳಿಗೆ ನೀಡಲು ಮತ್ತು ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಕಾರ್ಯದಲ್ಲಿ ರಾಷ್ಟ್ರೀಯ ಪಕ್ಷಗಳು ಸಹಕಾರ ನೀಡುವುದಾಗಿ ತಿಳಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್, ಉಪ ಕಾರ್ಯದರ್ಶಿ ಮಮತ ಹಸ ಗೌಡರ್, ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್, ಪಾಲಿಕೆ ಆಯುಕ್ತ ಮಹಾಂತೇಶ್ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂಕಣ6 days agoದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
-
ದಿನದ ಸುದ್ದಿ4 days agoಚನ್ನಗಿರಿ | ಲವ್ ಮ್ಯಾರೇಜ್ ; ಪೊಲೀಸ್ ಠಾಣೆ ಆವರಣದಲ್ಲೇ ಯುವಕನಿಗೆ ಚಾಕು ಇರಿತ
-
ದಿನದ ಸುದ್ದಿ2 days agoದಾವಣಗೆರೆ | ತಾಪಂ ಅನುದಾನ ದುರುಪಯೋಗ: ಮೂವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ತನಿಖೆ ಚುರುಕು
-
ದಿನದ ಸುದ್ದಿ4 days ago
ಮತದಾರರ ಪಟ್ಟಿ ಪರಿಷ್ಕರಣೆ | ಪ್ರತಿಯೊಬ್ಬರ ಮನೆಬಾಗಿಲಿಗೆ ತಲುಪಲಿವೆ ಫಾರಂಗಳು ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ
-
ದಿನದ ಸುದ್ದಿ2 hours agoಮಾಠಾಧೀಶರ ಮೇಲೆ ಹಲ್ಲೆ ; ನಿರ್ಲಕ್ಷಿಸಿದರೆ ದುಷ್ಕೃತ್ಯ ಹೆಚ್ಚಳ ಸಂಭವ; ಕಠಿಣ ಕ್ರಮಕ್ಕೆ ಎಚ್.ಆಂಜನೇಯ ಆಗ್ರಹ

