ದಿನದ ಸುದ್ದಿ
ಲಜ್ಜೆಗೆಟ್ಟ ರಾಜಕಾರಣಕ್ಕೆ ಕರ್ನಾಟಕವೇ ತವರು..!
- ನಾ ದಿವಾಕರ
ಮೂರು ನಾಲ್ಕು ದಶಕಗಳ ಹಿಂದೆ ಉತ್ತರ ಭಾರತದ ಹಲವು ರಾಜ್ಯಗಳು ‘ ಆಯಾರಾಂ ಗಯಾರಾಂ ’ ಪಕ್ಷಾಂತರ ರಾಜಕಾರಣದಿಂದ ಕಲುಷಿತಗೊಂಡು ಕಂಗೆಟ್ಟಿದ್ದ ಸಂದರ್ಭದಲ್ಲಿ ಕರ್ನಾಟಕ ಮೌಲ್ಯಾಧಾರಿತ ರಾಜಕಾರಣಕ್ಕೆ ಹೆಸರಾಗಿತ್ತು. ಅಧಿಕಾರಸ್ಥ ರಾಜಕಾರಣಿಗಳ ಉತ್ತರದಾಯಿತ್ವದ ಪ್ರಜ್ಞೆ ಮತ್ತು ಕೊಂಚ ಮಟ್ಟಿನ ಪ್ರಾಮಾಣಿಕತೆ ರಾಜ್ಯ ರಾಜಕಾರಣದಲ್ಲಿ ಹೊಸ ಅಲೆ ಸೃಷ್ಟಿಸಿತ್ತು.
ಪಕ್ಷಾಂತರ, ಭಿನ್ನಮತೀಯ ರಾಜಕಾರಣ, ಪಕ್ಷಭೇದ ಮತ್ತು ಹೊಸ ಪಕ್ಷಗಳ ಸ್ಥಾಪನೆ ಇವೆಲ್ಲದರ ನಡುವೆಯೇ ರಾಜ್ಯದಲ್ಲಿ, ಅಧಿಕಾರ ಪೀಠದಲ್ಲಿರುವವರು ‘ ನೈತಿಕ ಹೊಣೆ ’ ಎನ್ನುವ ಪದಗಳ ಅರ್ಥವನ್ನು ಬಲ್ಲವರಾಗಿದ್ದರು. ಅಪವಾದಗಳಿಂದ ಮುಕ್ತವಾದ ರಾಜಕಾರಣ ಅಸಾಧ್ಯವೇ ಆದರೂ ತಮ್ಮ ಮೇಲಿನ ಅಪವಾದಗಳನ್ನು ಸ್ವೀಕರಿಸಿ, ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡುವ ಒಂದು ಪರಂಪರೆಗೆ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗ್ಗಡೆ ಸಾಕ್ಷಿಯಾಗಿದ್ದರು.
ಅಬ್ದುಲ್ ನಜೀರ್ ಸಾಬ್ ಅವರಂತಹ ನಿಸ್ಪೃಹ, ಪ್ರಾಮಾಣಿಕ, ಸರಳ ಸಜ್ಜನಿಕೆಯ ರಾಜಕಾರಣಿಯೊಬ್ಬರು ಈ ನೆಲದ ಮೇಲೆ ಓಡಾಡಿದ್ದರು ಎನ್ನುವುದು ಹೆಮ್ಮೆಯ ವಿಚಾರ. ಆದರೆ ಇಂತಹ ಒಂದು ವ್ಯಕ್ತಿತ್ವ ಕೇವಲ ಮೂರು ನಾಲ್ಕು ದಶಕಗಳ ಒಳಗೆ ಪ್ರಾಚೀನ ಶಿಲಾಶಾಸನದಂತೆ ಕಾಣುತ್ತಿರುವುದು ದುರಂತ.
ನಜೀರ್ ಸಾಬ್ ಮೂರು ನಾಲ್ಕು ಪೀಳಿಗೆಯ ರಾಜಕಾರಣಿಗಳಿಗೆ ಪ್ರೇರಣೆಯಾಗಬೇಕಿತ್ತು, ಸ್ಪೂರ್ತಿಯಾಗಬೇಕಿತ್ತು. ಆದರೆ ಅವರ ಒಡನಾಟದಲ್ಲಿದ್ದವರೂ ಇಂದು ಭ್ರಷ್ಟ ಮಾರ್ಗಗಳಲ್ಲಿ ನಡೆಯುತ್ತಿರುವುದನ್ನು ನೋಡಿದರೆ, ನವ ಉದಾರವಾದದ ಕಾರ್ಪೋರೇಟ್ ರಾಜಕಾರಣ ನಮ್ಮ ದೇಶದ ರಾಜಕೀಯ ವಾತಾವರಣವನ್ನು ಎಷ್ಟು ಕಲುಷಿತಗೊಳಿಸಿದೆ ಎಂದು ಅರ್ಥವಾಗುತ್ತದೆ.
ಭಾರತದ ರಾಜಕಾರಣದಲ್ಲಿ ಪ್ರಾಮಾಣಿಕತೆ ಮತ್ತು ಸತ್ಯಸಂಧತೆಯೂ ಇತ್ತು ಎನ್ನುವುದು ಬಹುಶಃ ಮುಂದಿನ ಪೀಳಿಗೆಗೆ ಪುರಾಣ ಕಥನದಂತೆ ಕಾಣುತ್ತದೆ. ನಿಜ, ದೇಶ ಬದಲಾಗಿದೆ, ಜನರೂ ಬದಲಾಗಿದ್ದಾರೆ, ಹಾಗೆಯೇ ರಾಜಕಾರಣಿಗಳೂ ಬದಲಾಗಿದ್ದಾರೆ. ಆದರೆ ರಾಜಕೀಯ ರಂಗದಲ್ಲಿ ಉಂಟಾಗಿರುವ ಬದಲಾವಣೆ ದೇಶವನ್ನು ವಿನಾಶದತ್ತ ಕೊಂಡೊಯ್ಯುವಂತೆ ಕಾಣುತ್ತಿದೆ.
ಪಂಚಾಯತ್ ವ್ಯವಸ್ಥೆಗೆ ಒಂದು ಸ್ಪಷ್ಟ ಕಾಯಕಲ್ಪ ನೀಡಿದ ಕರ್ನಾಟಕದಲ್ಲಿ ನಾವು ಗ್ರಾಮ ಪಂಚಾಯತ್ ಸ್ಥಾನಗಳು ಹರಾಜಾಗುತ್ತಿರುವುದನ್ನು ಇತ್ತೀಚೆಗಷ್ಟೇ ನೋಡಿದ್ದೇವೆ. ಜನಪ್ರತಿನಿಧಿ ಎನ್ನುವ ಪದ ಅಧಿಕಾರ ಕೇಂದ್ರಗಳಲ್ಲಿ ತಮ್ಮ ಅಸ್ತಿತ್ವವನ್ನು ಕಳೆದುಕೊಂಡು ಹರಾಜು ಮಾರುಕಟ್ಟೆಯಲ್ಲಿ ಬಿಕರಿಯಾಗುತ್ತಿರುವ ಒಂದು ವಿಕೃತ ಪರಂಪರೆಗೆ ಕರ್ನಾಟಕವೇ ಪ್ರಧಾನ ಭೂಮಿಕೆಯಾಗಿರುವುದು ವಿಪರ್ಯಾಸ ಎನಿಸಿದರೂ ಸತ್ಯ.
ತತ್ವ, ಸಿದ್ಧಾಂತ ಮತ್ತು ಜನಸೇವೆ ಈ ಮೂರೂ ಉದಾತ್ತ ಚಿಂತನೆಗಳಿಗೆ ಎಂದೋ ತಿಲಾಂಜಲಿ ಕೊಟ್ಟಿರುವ ರಾಜ್ಯ ರಾಜಕಾರಣದಲ್ಲಿ ಇಂದು ಉಳಿದಿರುವುದು ಅಧಿಕಾರ ರಾಜಕಾರಣ ಮಾತ್ರ ಎನ್ನುವುದೂ ಅಷ್ಟೇ ಸತ್ಯ. ಏಕೆಂದರೆ ನವ ಉದಾರವಾದ ಮತ್ತು ಹಣಕಾಸು ಬಂಡವಾಳ ಊರ್ಜಿತವಾಗಲು ಬೇಕಿರುವುದು ಒಂದು ಪ್ರಬಲ ಸರ್ಕಾರ ಮತ್ತು ಶಿಥಿಲ ವಿರೋಧ.
ರಾಷ್ಟ್ರ ಮಟ್ಟದಲ್ಲಿ ಮತ್ತು ರಾಜ್ಯ ಮಟ್ಟದಲ್ಲಿ ಇದನ್ನು ಸಾಧಿಸಲಾಗಿದೆ. ಹಾಗಾಗಿಯೇ ರಾಜ್ಯದ ರೈತರ ಪಾಲಿಗೆ ಮರಣಶಾಸನವಾಗಲಿರುವ ಕೃಷಿ ಮಸೂದೆ, ಎಪಿಎಂಸಿ ಕಾಯ್ದೆಯ ತಿದ್ದುಪಡಿ, ಭೂ ಸ್ವಾಧೀನ ಕಾಯ್ದೆಯ ತಿದ್ದುಪಡಿ ಮತ್ತು ಗೋಹತ್ಯೆ ನಿಷೇಧ ಕಾಯ್ದೆಗಳ ವಿರುದ್ಧ ಒಂದು ಪ್ರಬಲ ರಾಜಕೀಯ ಹೋರಾಟ ರೂಪುಗೊಳ್ಳುತ್ತಿಲ್ಲ.
ಗೋಮಾಂಸ ಸೇವನೆಯ ಹಕ್ಕು ಬಾಧ್ಯತೆಗಳನ್ನು ಕುರಿತು ನಡೆಯುತ್ತಿರುವಷ್ಟು ರಾಜಕೀಯ ಚರ್ಚೆಗಳು, ವಾಗ್ವಾದಗಳು, ಗೋ ಹತ್ಯೆ ನಿಷೇಧದಿಂದ ರೈತಾಪಿಯ ಮೇಲೆ ಉಂಟಾಗುವ ವ್ಯತಿರಿಕ್ತ ಪರಿಣಾಮಗಳ ಬಗ್ಗೆ ನಡೆಯುತ್ತಿಲ್ಲ ಎನ್ನುವುದನ್ನೂ ಗಮನಿಸಬೇಕಿದೆ.
ಭೂ ಸ್ವಾಧೀನ ಕಾಯ್ದೆಯ ತಿದ್ದುಪಡಿಯಿಂದ ಕೃಷಿ ಭೂಮಿ ಉದ್ಯಮಿಗಳ ವಶವಾಗುವ ಅಪಾಯವನ್ನು ರೈತ ಸಂಘಟನೆಗಳು ಗ್ರಹಿಸಿವೆಯಾದರೂ, ರಾಜ್ಯದ ವಿರೋಧ ಪಕ್ಷಗಳು ಒಂದು ಸ್ಪಷ್ಟ ನಿಲುವು ತಳೆಯುವಲ್ಲಿ ವಿಫಲವಾಗಿವೆ. ಮಣ್ಣಿನ ಮಕ್ಕಳ ಪಕ್ಷ ಎಂಬ ಹೆಗ್ಗಳಿಕೆಯೊಂದಿಗೇ ತನ್ನ ಅಸ್ತಿತ್ವ ಉಳಿಸಿಕೊಂಡಿರುವ ಜಾತ್ಯತೀತ ಜನತಾ ದಳ ಭೂ ಸ್ವಾಧೀನ ಕಾಯ್ದೆಯ ತಿದ್ದುಪಡಿಗೆ ಬೆಂಬಲ ವ್ಯಕ್ತಪಡಿಸಿದೆ. ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಮಸೂದೆಗಳ ಬಗ್ಗೆ ಮೌನ ವಹಿಸಿದೆ.
ಈ ನಡುವೆಯೇ ಕರ್ನಾಟಕದ ರಾಜಕಾರಣ ಅಕ್ಷರಶಃ ಹರಾಜು ಮಾರುಕಟ್ಟೆಯಂತಾಗಿರುವುದನ್ನು ಗಂಭೀರವಾಗಿ ಪರಿಗಣಿಸಬೇಕಿದೆ. ಇತ್ತೀಚಿನ ಕೆಲವು ಬೆಳವಣಿಗೆಗಳು ಈ ಮಾರುಕಟ್ಟೆ ರಾಜಕಾರಣವನ್ನು ನಡುಬೀದಿಯಲ್ಲಿ ಬೆತ್ತಲಾಗಿ ನಿಲ್ಲಿಸಿಬಿಟ್ಟಿದೆ.
2008ರ ನಂತರದಲ್ಲಿ ನವ ಉದಾರವಾದಿ ಮಾರುಕಟ್ಟೆ ವ್ಯವಸ್ಥೆ ಜಾಗತಿಕ ಮಟ್ಟದಲ್ಲಿ ಎದುರಿಸಿದ ಬಿಕ್ಕಟ್ಟಿಗೂ, ಭಾರತದ ರಾಜಕಾರಣದಲ್ಲಿ ಕಾರ್ಪೋರೇಟ್ ಔದ್ಯಮಿಕ ಹಿತಾಸಕ್ತಿಗಳ ನೇರ ಪಾಲ್ಗೊಳ್ಳುವಿಕೆಗೂ ನೇರ ಸಂಬಂಧ ಇರುವುದನ್ನು ಈ ಮಾರುಕಟ್ಟೆ ರಾಜಕಾರಣದಲ್ಲಿ ಗುರುತಿಸಬಹುದು. ಪಕ್ಷಾಂತರ ನಿಷೇಧ ಕಾಯ್ದೆ ಮತ್ತು ಸಾಂವಿಧಾನಿಕ ನಿಯಮ, ಬದ್ಧತೆಗಳನ್ನು ಗಾಳಿಗೆ ತೂರಿ ರಾಜಕೀಯ ಪಕ್ಷಗಳು ಶಾಸಕರನ್ನು ಖರೀದಿಸಲು ಮುಂದಾಗಿದ್ದೂ ಸಹ ಈ ಬಿಕ್ಕಟ್ಟಿನ ನಂತರದಲ್ಲೇ ಎನ್ನುವುದನ್ನೂ ಗಮನಿಸಬೇಕು.
ಜನಸಾಮಾನ್ಯರು ಸುಸ್ಥಿರ ಸರ್ಕಾರ ಬಯಸುತ್ತಾರೆ, ಸುಭದ್ರ ಆಡಳಿತ ಅಪೇಕ್ಷಿಸುತ್ತಾರೆ ಆದರೆ ಒಂದೇ ಪಕ್ಷದ ಸ್ಪಷ್ಟ ಬಹುಮತದ ರಾಜಕೀಯ ಅಧಿಕಾರ ಜನಾಭಿಪ್ರಾಯದ ಒತ್ತಾಸೆಯಲ್ಲ. ಇದು ಮಾರುಕಟ್ಟೆಯ ಅನಿವಾರ್ಯತೆ. ಈ ಅನಿವಾರ್ಯತೆಯನ್ನು ಜನಾಭಿಪ್ರಾಯವಾಗಿ ರೂಪಿಸುವ ಹೊಣೆಯನ್ನು ಕಾರ್ಪೋರೇಟ್ ನಿಯಂತ್ರಿತ ಸುದ್ದಿ ಮಾಧ್ಯಮಗಳು ವಹಿಸಿಕೊಂಡಿವೆ.
ಇದರ ಪರಿಣಾಮ, ಕರ್ನಾಟಕದಲ್ಲಿ ‘ ಅನರ್ಹರ ರಾಜಕಾರಣ ’ ಎನ್ನುವ ಹೊಸ ಪರಿಕಲ್ಪನೆ ಹುಟ್ಟಿಕೊಂಡಿದೆ. ಒಂದು ಪಕ್ಷದಿಂದ ಆಯ್ಕೆಯಾಗಿ, ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು, ಅನರ್ಹ ಪಟ್ಟ ಪಡೆದು, ಅನರ್ಹರಾಗಿಯೇ ಮತ್ತೊಂದು ಪಕ್ಷದಿಂದ ಚುನಾವಣೆಗೆ ಸ್ಪರ್ಧಿಸಿ ಅಧಿಕಾರ ಪೀಠಕ್ಕೆ ಸನಿಹವಾಗುವ ಒಂದು ಅನಿಷ್ಟ ಪರಂಪರೆಗೆ ರಾಜ್ಯದ ಹಲವು ಅನುಭವಿ ರಾಜಕಾರಣಿಗಳೇ ಸ್ಪಷ್ಟ ಬುನಾದಿ ಹಾಕಿರುವುದು ದುರಂತವಾದರೂ ಸತ್ಯ. ಈ ಬೆಳವಣಿಗೆಯ ಹಿಂದೆ ಮಾರುಕಟ್ಟೆಯ ಶಕ್ತಿ ಇರುವುದನ್ನು ನಿರ್ಲಕ್ಷಿಸಲಾಗುವುದಿಲ್ಲ.
ಈ ನಡುವೆಯೇ ರಾಜ್ಯದ ಲಜ್ಜೆಗೆಟ್ಟ ರಾಜಕಾರಣ ಪರಾಕಾಷ್ಠೆ ತಲುಪಿದೆ. 17 ಮಂದಿ ಅನರ್ಹ ಶಾಸಕರ ಬಲದಿಂದ ಸರ್ಕಾರ ರಚಿಸಿದ ಬಿಜೆಪಿ ಮತ್ತು ತಮ್ಮ ರಾಜಕೀಯ ಅಸ್ತಿತ್ವಕ್ಕಾಗಿ ಅಸ್ಮಿತೆಗಳನ್ನೂ ಮಾರಿಕೊಂಡು ಬಿಕರಿಯಾಗಿರುವ ಶಾಸಕರು ರಾಜ್ಯ ಶಾಸನಸಭೆಯನ್ನು ತರಕಾರಿ ಮಾರುಕಟ್ಟೆಯಂತೆ ಬಳಸುತ್ತಿದ್ದಾರೆ. ಸಚಿವ ಪದವಿ, ನಿಗಮ ಮಂಡಲಿ ಅಧ್ಯಕ್ಷ ಪದವಿ ಇಲ್ಲದೆ ಹೋದರೆ ಈ ಜನ ನಾಯಕರ ಜನಸೇವೆಯೇ ಸ್ಥಗಿತವಾಗಿಬಿಡುತ್ತದೆ.
‘ಜನಸೇವೆಯೇ ಜನಾರ್ಧನ ಸೇವೆ’ ಎನ್ನುವ ಘೋಷವಾಕ್ಯ ಎಂದೋ ಮೂಲೆಗೆ ಸೇರಿದ್ದು ಇಂದು ಧನಾರ್ಜನೆಯೇ ಜನಸೇವೆಯ ಗುರಿಯಾಗಿರುವುದು ಸ್ಪಷ್ಟ. ಗ್ರಾಮಪಂಚಾಯತ್ ಮಟ್ಟದಲ್ಲಿ ಸ್ಥಾನಗಳೇ ಹರಾಜು ಹಾಕಲ್ಪಟ್ಟರೆ, ರಾಜ್ಯ ಸರ್ಕಾರದಲ್ಲಿ ಸಚಿವ ಪದವಿ ಹರಾಜು ಹಾಕಲಾಗುತ್ತಿದೆ. ಒಂದು ರಹಸ್ಯ ಸಿ ಡಿ ಇಡೀ ರಾಜ್ಯ ರಾಜಕಾರಣವನ್ನು ಬೆತ್ತಲಾಗಿಸುತ್ತಿದೆ. ಶಾಸಕರನ್ನು ಖುಲ್ಲಂಖುಲ್ಲಾ ಖರೀದಿಸುವ ಪ್ರಕ್ರಿಯೆಗೆ ಆಪರೇಷನ್ ಕಮಲ ಹೆಸರಿನಲ್ಲಿ ಚಾಲನೆ ನೀಡಿದ ಬಿಜೆಪಿಯ ನಾಯಕತ್ವ ಇಂದಿನ ಹದಗೆಟ್ಟ ಪರಿಸ್ಥಿಗೆ ಸಂಪೂರ್ಣ ಹೊಣೆ ಹೊರಬೇಕಿದೆ.
17 ಶಾಸಕರನ್ನು ಬಿಜೆಪಿಗೆ ತರಲು ನೂತನ ಸಚಿವ ಯೋಗೇಶ್ವರ್ 9 ಕೋಟಿ ರೂ ಸಾಲ ಮಾಡಿದ್ದಾರೆ ಎಂದು ಮತ್ತೋರ್ವ ಮಾಜಿ ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಅಂದರೆ ಈ ಶಾಸಕರ ನಿಷ್ಠೆಯನ್ನು ಖರೀದಿಸಲು ಹಣಕಾಸು ವ್ಯವಹಾರ ನಡೆದಿದೆ ಎನ್ನುವುದು ಸ್ಪಷ್ಟವಾಗುತ್ತದೆ. 9 ಕೋಟಿ ರೂ ಸಾಲ ಮಾಡುವ ವ್ಯಕ್ತಿ 90 ಕೋಟಿ ರೂ ಖರ್ಚು ಮಾಡುವ ಸಾಮರ್ಥ್ಯ ಹೊಂದಿರುತ್ತಾನೆ.
ಪ್ರಜಾತಂತ್ರ ವ್ಯವಸ್ಥೆಯಲ್ಲಿ ಜನರು ನಿಷ್ಠೆಯಿಂದ ಪವಿತ್ರ ಮತ ಚಲಾಯಿಸುವ ಮೂಲಕ ಆಯ್ಕೆ ಮಾಡಿ ಶಾಸನಸಭೆಗೆ ಕಳುಹಿಸುವ ಶಾಸಕರು ಈ ರೀತಿ ಬಿಕರಿಯಾಗುವುದೇ ಪ್ರಜಾತಂತ್ರ ಮೌಲ್ಯಗಳಿಗೆ ಅಪಚಾರ ಎಸಗಿದಂತಲ್ಲವೇ ? ಈ ಕನಿಷ್ಠ ಪ್ರಜ್ಞೆ ರಾಜಕಾರಣಿಗಳಲ್ಲಿ ಇರುವುದಿಲ್ಲ ಏಕೆಂದರೆ ಅವರ ದೃಷ್ಟಿ ಅಧಿಕಾರ ಪೀಠದ ಮೇಲಿರುತ್ತದೆ. ಆದರೆ ಪ್ರಜ್ಞಾವಂತ ನಾಗರಿಕರಲ್ಲಿ ಈ ಪ್ರಜ್ಞೆ ಇರಬೇಕಲ್ಲವೇ ?
ಮುಖ್ಯಮಂತ್ರಿ ಯಡಿಯೂರಪ್ಪ ಬ್ಲಾಕ್ಮೇಲ್ ರಾಜಕಾರಣಕ್ಕೆ ಬಲಿಯಾಗಿದ್ದಾರೆ ಎಂದು ನಿರೂಪಿಸಲು ತಮ್ಮ ಬಳಿ ಇರುವ ರಹಸ್ಯ ಸಿ ಡಿ ಒಂದನ್ನು ಗುರಾಣಿಯಂತೆ ಬಳಸುತ್ತಿರುವ ಬಸನಗೌಡ ಪಾಟಿಲ್ ಯತ್ನಾಳ್ ಅವರಿಗೆ ಸಂವಿಧಾನ ಮತ್ತು ಸಾಂವಿಧಾನಿಕ ಮೌಲ್ಯಗಳ ಬಗ್ಗೆ ಕಿಂಚಿತ್ತಾದರೂ ಗೌರವ ಇದ್ದಿದ್ದಲ್ಲಿ ಈ.
ಸಿ ಡಿಯನ್ನು ಎಂದೋ ಸಾರ್ವಜನಿಕರ ಮುಂದೆ ಬಹಿರಂಗಪಡಿಸುತ್ತಿದ್ದರು. ತಮ್ಮ ಸ್ವಾರ್ಥ ಸಾಧನೆಗೆ ‘ಯಾರೂ ನೋಡಲಾಗದಂತಹ’ ಸಿ ಡಿ ಒಂದನ್ನು ಅಸ್ತ್ರವನ್ನಾಗಿ ಬಳಸುವುದು ಹೊಲಸು ರಾಜಕಾರಣವಲ್ಲವೇ ? ಒಂದು ವೇಳೆ ಯತ್ನಾಳ್ ಅವರ ಬೇಡಿಕೆಗಳು ಈಡೇರಿದರೆ ಈ
ಸಿ ಡಿಯಲ್ಲಿ ಇರಬಹುದಾದ ಅವ್ಯವಹಾರಗಳ ದಾಖಲೆಗಳು ಶಾಶ್ವತವಾಗಿ ಭೂಗತವಾಗಿಬಿಡುತ್ತವೆ ಅಲ್ಲವೇ ?
ಸಿ ಡಿ ರಾಜಕಾರಣ, ರೆಸಾರ್ಟ್ ರಾಜಕಾರಣ ಮತ್ತು ಬ್ಲಾಕ್ಮೇಲ್ ರಾಜಕಾರಣ ಈ ಮೂರೂ ವಿದ್ಯಮಾನಗಳ ಹಿಂದೆ ಕಾರ್ಪೋರೇಟ್ ಬಂಡವಾಳ, ಕರಾಳ ದಂಧೆಯ ಕಪ್ಪುಹಣ ಮತ್ತು ಮಾರುಕಟ್ಟೆ ಮಾಫಿಯಾದ ಛಾಯೆ ಇರುವುದನ್ನು ಗಮನಿಸದೆ ಹೋದರೆ ಬಹುಶಃ ಮುಂದಿನ ದಿನಗಳಲ್ಲಿ ಚುನಾವಣೆಗಳೇ ಒಂದು ಹಾಸ್ಯ ಪ್ರಹಸನವಾಗಿಬಿಡುತ್ತದೆ. ಇಡೀ ಪ್ರಜಾತಂತ್ರ ವ್ಯವಸ್ಥೆಯನ್ನು ಮಾರುಕಟ್ಟೆ ಶಕ್ತಿಗಳು ಆಕ್ರಮಿಸುತ್ತವೆ.
ಜನರು ಜನಪ್ರತಿನಿಧಿಗಳಿಗೆ ಮತ ನೀಡಿದರೆ, ಧನಿಕರು ಧನಪ್ರತಿನಿಧಿಗಳನ್ನು ಶಾಸನ ಸಭೆಗಳಿಗೆ ಕಳಿಸುತ್ತಾರೆ. ಏಕಂದರೆ ಹಣಕಾಸು ಬಂಡವಾಳಿಗರ ಹೂಡಿಕೆಗೆ ವಂದಿಮಾಗಧರ ಬೃಹತ್ ಪಡೆಯ ಅವಶ್ಯಕತೆ ಇರುತ್ತದೆ. ಕೇಂದ್ರ ಸರ್ಕಾರದ ಕೃಷಿ ಮಸೂದೆಗಳು ಇದಕ್ಕೊಂದು ಸ್ಪಷ್ಟ ಉದಾಹರಣೆ. 101 ರೈತರ ಸಾವಿಗೆ ಕನಿಷ್ಠ ಅನುಕಂಪ ತೋರುವುದಕ್ಕೂ ಮುಂದಾಗದ ನರೇಂದ್ರ ಮೋದಿ ಸರ್ಕಾರ ಮಾರುಕಟ್ಟೆ ಶಕ್ತಿಗಳ ಕಬಂಧ ಬಾಹುಗಳಲ್ಲಿ ಸಿಲುಕುವ ಒಂದು ಚುನಾಯಿತ ಸರ್ಕಾರ ಹೇಗಿರುತ್ತದೆ ಎನ್ನುವುದನ್ನು ನಿರೂಪಿಸಿದೆ.
ಈ ಹಿನ್ನೆಲೆಯಲ್ಲೇ ಕರ್ನಾಟಕದ ಇತ್ತೀಚಿನ ರಾಜಕೀಯ ಬೆಳವಣಿಗೆಗಳನ್ನು ಗಮನಿಸಬೇಕಿದೆ. ಮೊದಲು ಶಾಸಕರಲ್ಲಿ ಎರಡೇ ಪ್ರಭೇದಗಳಿದ್ದವು. ಹಾಲಿ ಮತ್ತು ಮಾಜಿ. ಈಗ ಅರ್ಹ-ಅನರ್ಹ, ಸಂತೃಪ್ತ-ಅತೃಪ್ತ, ಮೂಲ-ವಲಸಿಗ ಹೀಗೆ ಹಲವು ಪ್ರಭೇದಗಳು ಹುಟ್ಟಿಕೊಂಡಿವೆ.
ಈ ಗೊಂದಲದ ನಡುವೆ ‘ ಪ್ರಾಮಾಣಿಕ ಶಾಸಕ ’ ರ ಸಂತತಿಯೇ ನಶಿಸುತ್ತಿದೆ. ‘ ಜನಪರ ಕಾಳಜಿ ’ ಮತ್ತು ‘ ಜನ ಸೇವೆ ’ ಎಂಬ ಪರಿಕಲ್ಪನೆಗಳು ಹರಾಜು ಮಾರುಕಟ್ಟೆಯಲ್ಲಿ ಬಿಕರಿಯಾಗುವ ಕಚ್ಚಾ ವಸ್ತುಗಳಾಗಿದ್ದು, ಇವೆರಡರ ಪರಿವೆಯೇ ಇಲ್ಲದ ನಾಯಕರಿಗೆ ಮಾರುಕಟ್ಟೆಯಲ್ಲಿ ಅತಿ ಹೆಚ್ಚು ಬೆಲೆ ನಿಗದಿಯಾಗುತ್ತದೆ. 17 ಶಾಸಕರನ್ನು ಒಂದುಗೂಡಿಸಲು 9 ಕೋಟಿ ರೂ ಖರ್ಚು ಮಾಡುವ ಒಂದು ವ್ಯವಸ್ಥೆಗೆ ಇದೂ ಒಂದು ಕಾರಣ.
ಕೆಂಗಲ್ ಹನುಮಂತಯ್ಯನವರಿಂದ ಜೆ ಹೆಚ್ ಪಟೇಲ್ ವರೆಗಿನ ಒಂದು ರಾಜಕೀಯ ಪರಂಪರೆ ಪ್ರಾಚೀನ ವ್ಯವಸ್ಥೆಯ ಪಳೆಯುಳಿಕೆಯಂತೆ ಕಂಡುಬಂದರೆ, ಈ ಅಧಃಪತನದ ಹಿಂದೆ ಮಾರುಕಟ್ಟೆ ಬಂಡವಾಳ ಮತ್ತು ಅಧಿಕಾರ ರಾಜಕಾರಣದ ಹಂಬಲ ಪ್ರಬಲ ಶಕ್ತಿಗಳಾಗಿ ಕಂಡುಬರುತ್ತವೆ.
ಈ ನಡುವೆ ರಾಜ್ಯ ರಾಜಕಾರಣದಲ್ಲಿ ಸದಾ ಕೇಳಿಬರುತ್ತಿದ್ದ ಮೌಲ್ಯ, ತತ್ವ , ಸಿದ್ಧಾಂತ ಮತ್ತು ಸಾಂವಿಧಾನಿಕ ಬದ್ಧತೆ ಮುಂತಾದ ಪದಗಳು ಇತಿಹಾಸದ ಕಸದಬುಟ್ಟಿ ಸೇರಿಬಿಟ್ಟಿವೆ. ಈ ಹೊಲಸು ರಾಜಕಾರಣಕ್ಕೆ ಕರ್ನಾಟಕವೇ ತವರು ಎನ್ನುವುದು ಚರಿತ್ರೆಯ ದೊಡ್ಡ ದುರಂತ. ಆದರೆ ಇದು ವಾಸ್ತವ.
ಈ ಪರಿಸ್ಥಿತಿಗೆ ಯಾರು ಕಾರಣ ? ಪ್ರಜ್ಞೆ ಕಳೆದುಕೊಂಡಿರುವ ನಾಗರಿಕರೋ ಸ್ವಂತಿಕೆ ಕಳೆದುಕೊಂಡಿರುವ ರಾಜಕಾರಣಿಗಳೋ ? ನಜೀರ್ ಸಾಬ್ ಕೇಳ್ತಿದಾರೆ, ಉತ್ತರ ಕೊಡಿ !
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಡಾ. ಶಾಮನೂರು ಶಿವಶಂಕರಪ್ಪ ನಿಧನ ; ವೀರಶೈವ ವಿಧಿವಿಧಾನದಂತೆ ಕಲ್ಲೇಶ್ವರ ಮಿಲ್ನಲ್ಲಿ ಅಂತ್ಯ ಸಂಸ್ಕಾರ
ಸುದ್ದಿದಿನ,ದಾವಣಗೆರೆ:ಮಾಜಿ ಸಚಿವರು ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ; ಶಾಮನೂರು ಶಿವಶಂಕರಪ್ಪನವರು ನಿಧನರಾಗಿದ್ದು ಅವರ ಅಂತ್ಯ ಸಂಸ್ಕಾರವು ಸರ್ಕಾರಿ ಸಕಲ ಗೌರವಗಳೊಂದಿಗೆ ಹಾಗೂ ವೀರಶೈವ ಸಂಪ್ರದಾಯದಂತೆ ಕಲ್ಲೇಶ್ವರ ರೈಸ್ ಮಿಲ್ ಆವರಣದಲ್ಲಿ ಅಪಾರ ಜನಸ್ತೋಮದೊಂದಿಗೆ ಸೋಮವಾರ ಸಂಜೆ ಜರುಗಿತು.
ಡಾ; ಶಾಮನೂರು ಶಿವಶಂಕರಪ್ಪನವರಿಗೆ 95 ವರ್ಷವಾಗಿದ್ದು ವಯೋಸಹಜ ಅನಾರೋಗ್ಯದಿಂದ ಡಿಸೆಂಬರ್ 14 ರಂದು ನಿಧನ ಹೊಂದಿದ್ದರು. 6 ಭಾರಿ ಶಾಸಕರಾಗಿ, ಒಮ್ಮೆ ಸಂಸದರಾಗಿ ಸುಧೀರ್ಘ ರಾಜಕೀಯ ಸೇವೆಯಲ್ಲಿದ್ದ ಇವರು ರಾಜ್ಯ ಸೇರಿದಂತೆ ದಾವಣಗೆರೆಗೆ ಹೊಸ ರೂಪಕೊಟ್ಟಿದ್ದರು.
ಸೋಮವಾರ ಬೆಳಗ್ಗೆ 7.30 ಗಂಟೆಯಿಂದ ಪಾರ್ಥಿವ ಶರೀರಕ್ಕೆ ಸ್ವಗೃಹದಲ್ಲಿ ಕುಟುಂಬಸ್ಥರ ವಿವಿಧ ಪೂಜೆ ಪುನಸ್ಕಾರಗಳೊಂದಿಗೆ ವಿಧಿ ವಿಧಾನಗಳು ನಡೆದು, ಮಧ್ಯಾಹ್ನದಿಂದ ಹೈಸ್ಕೂಲ್ ಮೈದಾನದಲ್ಲಿ ಸಾರ್ವಜನಿಕರ ದರ್ಶನಕ್ಕೆ ಪಾರ್ಥಿವ ಶರೀರವನ್ನು ಇಡಲಾಗಿತ್ತು. ಸಾವಿರಾರು ಜನರು ಆಗಮಿಸಿ ಸರತಿ ಸಾಲಿನಲ್ಲಿ ಅಂತಿಮ ದರ್ಶನ ಪಡೆದರು.
ಮಧ್ಯಾಹ್ನ 3.30 ರಿಂದ ಹೈಸ್ಕೂಲ್ ಮೈದಾನದಿಂದ ಹೊರಟು ಹಳೇ ದಾವಣಗೆರೆ ಮಂಡಿಪೇಟೆ, ಕಾಯಿಪೇಟೆ, ಅರಳಿವೃತ್ತದ ಮೂಲಕ ಕಲ್ಲೇಶ್ವರ ಮಿಲ್ಗೆ ಪಾರ್ಥಿವ ಶರೀರ ತಲುಪಿತು. ಸಂಜೆ 4.30 ರಿಂದ ಅಂತಿಮ ವಿಧಿ ವಿಧಾನಗಳು ನಡೆದವು.
ಅಂತಿಮ ಸಂಸ್ಕಾರದಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು, ರಾಜ್ಯಸಭೆ ವಿರೋಧ ಪಕ್ಷದ ನಾಯಕರು ಹಾಗೂ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು, ಉಪ ಮುಖ್ಯಮಂತ್ರಿಯವರಾದ ಡಿ.ಕೆ.ಶಿವಕುಮಾರ್ ಅವರು, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಅರಣ್ಯ ಸಚಿವರಾದ ಈಶ್ವರ ಖಂಡ್ರೆ, ಬೃಹತ್ ಕೈಗಾರಿಕೆ ಸಚಿವರಾದ ಎಂ.ಬಿ.ಪಾಟೀಲ್ ಅವರು, ಇಂಧನ ಸಚಿವರಾದ ಕೆ.ಜೆ.ಜಾರ್ಜ್ರವರು, ಸಮಾಜ ಕಲ್ಯಾಣ ಸಚಿವರಾದ ಡಾ; ಹೆಚ್.ಸಿ.ಮಹದೇವಪ್ಪ, ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್, ಆಹಾರ ಸಚಿವರಾದ ಕೆ.ಎಚ್.ಮುನಿಯಪ್ಪ, ಅಲ್ಪಸಂಖ್ಯಾತರ ಕಲ್ಯಾಣ, ವಸತಿ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್ ಖಾನ್, ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರಾದ ಎಚ್.ಕೆ ಪಾಟೀಲ, ಜವಳಿ, ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ.ಎಸ್.ಪಾಟೀಲ, ಯೋಜನೆ ಮತ್ತು ಸಾಂಖ್ಯಿಕ ಸಚಿವರಾದ ಡಿ.ಸುಧಾಕರ್ ಸೇರಿದಂತೆ ಶಾಸಕರು ಸೇರಿದಂತೆ ವಿವಿಧ ಮಠಾಧೀಶರು ಭಾಗವಹಿಸಿ ಪುಷ್ಪ ನಮನ ಸಲ್ಲಿಸಿ ಅಂತಿಮ ದರ್ಶನ ಪಡೆದರು.
ಸರ್ಕಾರಿ ಗೌರವಗಳೊಂದಿಗೆ ಅಂತಿಮ ಸಂಸ್ಕಾರ ನೆರವೇರಿಸಲಾಯಿತು. ರಾಷ್ಟ್ರಧ್ವಜವನ್ನು ಪಾರ್ಥಿವ ಶರೀರಕ್ಕೆ ಹೊದಿಸಿ ಪೊಲೀಸ್ ಬ್ಯಾಂಡ್ ಮೂಲಕ ರಾಷ್ಟ್ರಗೀತೆ ನುಡಿಸಿ ಗೌರವ ಸಲ್ಲಿಸಲಾಯಿತು. ನಂತರ ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ ಗೌರವ ಸಲ್ಲಿಸಿ ಅಂತಿಮವಾಗಿ ಶೋಕ ವ್ಯಕ್ತಪಡಿಸಲಾಯಿತು. ರಾಷ್ಟ್ರಧ್ವಜವನ್ನು ಅವರ ಪುತ್ರರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಸ್ತಾಂತರಿಸಿದರು. ನಂತರ ಸಾಂಪ್ರದಾಯಿಕ ಪೂಜೆ, ವಿಧಿ, ವಿಧಾನಗಳೊಂದಿಗೆ ಪಾರ್ಥಿವ ಶರೀರವನ್ನು ಐಕ್ಯ ಮಂಟಪದಲ್ಲಿ ಇಡಲಾಯಿತು.
ಡಾ; ಶಾಮನೂರು ಶಿವಶಂಕರಪ್ಪನವರ ಪುತ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್, ಸೊಸೆ ಹಾಗೂ ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್, ಇನ್ನಿಬ್ಬರು ಪುತ್ರರಾದ ಎಸ್.ಎಸ್.ಬಕ್ಕೇಶ್, ಎಸ್.ಎಸ್.ಗಣೇಶ್ ಸೇರಿದಂತೆ ಶಾಮನೂರು ಶಿವಶಂಕರಪ್ಪನವರ ಕುಟುಂಬಸ್ಥರು ಅಂತಿಮ ವಿಧಿ ವಿಧಾನದಲ್ಲಿ ಭಾಗವಹಿಸಿ ಅಂತಿಮ ಸಂಸ್ಕಾರ ನೆರವೇರಿಸಲಾಯಿತು.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಎಸ್.ಆರ್.ಬೊಮ್ಮಾಯಿ, ಗೃಹ ಸಚಿವರಾದ ಜಿ.ಪರಮೇಶ್ವರ್, ಕಂದಾಯ ಸಚಿವರಾದ ಕೃಷ್ಣಬೈರೇಗೌಡ, ಕೃಷಿ ಸಚಿವರಾದ ಚಲುವರಾಯಸ್ವಾಮಿ, ಬಿ.ಜೆ.ಪಿ.ಪಕ್ಷದ ರಾಜ್ಯಾದ್ಯಕ್ಷರಾದ ಬಿ.ವೈ.ವಿಜಯೇಂದ್ರ ಸೇರಿದಂತೆ ಅನೇಕ ಶಾಸಕರು, ವಿಧಾನ ಪರಿಷತ್ ಸದಸ್ಯರು ಅಂತಿಮ ದರ್ಶನ ಪಡೆದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
2027ರ ಜನಗಣತಿ ನಡೆಸಲು ಬಜೆಟ್ ಅಂಗೀಕಾರ
ಸುದ್ದಿದಿನ,ದೆಹಲಿ:2027ರ ಜನಗಣತಿಯನ್ನು ನಡೆಸಲು ಸಂಪುಟವು 11 ಸಾವಿರದ 718 ಕೋಟಿ ರೂಪಾಯಿಗಳ ಬಜೆಟ್ಅನ್ನು ಅಂಗೀಕರಿಸಿದೆ. ಈ ಕುರಿತು ಮಾಹಿತಿ ನೀಡಿದ ಸಚಿವರು, 2027ರ ಜನಗಣತಿಯನ್ನು ಎರಡು ಹಂತಗಳಲ್ಲಿ ನಡೆಸಲಾಗುವುದು ಎಂದು ಹೇಳಿದರು.
ಇದು ಮೊದಲ ಡಿಜಿಟಲ್ ಜನಗಣತಿಯಾಗಲಿದೆ. 2027 ರ ಜನಗಣತಿಯು ಒಟ್ಟಾರೆ 16ನೇ ಮತ್ತು ಸ್ವಾತಂತ್ರ್ಯದ ನಂತರದ 8 ನೇ ಜನಗಣತಿಯಾಗಲಿದೆ. ಭಾರತದ ಜನಗಣತಿಯನ್ನು ವಿಶ್ವದ ಅತಿದೊಡ್ಡ ಆಡಳಿತಾತ್ಮಕ ಮತ್ತು ಸಂಖ್ಯಾಶಾಸ್ತ್ರೀಯ ಕ್ರಮವೆಂದು ಪರಿಗಣಿಸಲಾಗಿದೆ ಎಂದು ಅವರು ತಿಳಿಸಿದರು.
ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು 2026ರ ಹಂಗಾಮಿಗೆ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆಗೆ ಅನುಮೋದನೆ ನೀಡಿದೆ. ಬೆಳೆಗಾರರಿಗೆ ಲಾಭದಾಯಕ ಬೆಲೆಗಳನ್ನು ಒದಗಿಸುವ ಸಲುವಾಗಿ, ಸರ್ಕಾರವು 2018-19 ರ ಕೇಂದ್ರ ಬಜೆಟ್ನಲ್ಲಿ ಎಲ್ಲಾ ಕಡ್ಡಾಯ ಬೆಳೆಗಳ ಎಂಎಸ್ಪಿ ಅನ್ನು ಅಖಿಲ ಭಾರತ ಸರಾಸರಿ ಉತ್ಪಾದನಾ ವೆಚ್ಚದ ಕನಿಷ್ಠ 1.5 ಪಟ್ಟು ಮಟ್ಟದಲ್ಲಿ ನಿಗದಿಪಡಿಸಲಾಗುವುದು ಎಂದು ಘೋಷಿಸಿತ್ತು. ಮಿಲ್ಲಿಂಗ್ ಕೊಬ್ಬರಿಗೆ ಎಂಎಸ್ಪಿಯನ್ನು ಕ್ವಿಂಟಲ್ಗೆ 445 ರೂಪಾಯಿಗಳಿಂದ 12 ಸಾವಿರದ 27 ರೂಪಾಯಿಗಳಿಗೆ ಹೆಚ್ಚಿಸಲಾಗಿದೆ ಮತ್ತು ಅದೇ ಅವಧಿಗೆ ಉಂಡೆ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆ 2026ರ ಹಂಗಾಮಿಗೆ ಕ್ವಿಂಟಲ್ಗೆ 400 ರೂಪಾಯಿಗಳಿಂದ 12 ಸಾವಿರದ 500 ರೂಪಾಯಿಗಳಿಗೆ ಹೆಚ್ಚಿಸಲಾಗಿದೆ.
ಹೆಚ್ಚಿನ ಕನಿಷ್ಠ ಬೆಂಬಲ ಬೆಲೆಯು ತೆಂಗಿನ ಬೆಳೆಗಾರರಿಗೆ ಉತ್ತಮ ಲಾಭದಾಯಕ ಆದಾಯವನ್ನು ಖಚಿತಪಡಿಸುವುದಲ್ಲದೆ, ದೇಶೀಯವಾಗಿ ಮತ್ತು ಅಂತಾರಾಷ್ಟ್ರೀಯವಾಗಿ ತೆಂಗಿನ ಉತ್ಪನ್ನಗಳಿಗೆ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು ಕೊಬ್ಬರಿ ಉತ್ಪಾದನೆಯನ್ನು ವಿಸ್ತರಿಸಲು ರೈತರನ್ನು ಪ್ರೋತ್ಸಾಹಿಸುತ್ತದೆ ಎಂದು ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೋಲ್ಸೇತು ನೀತಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ; ಸಂಪನ್ಮೂಲಗಳ ನ್ಯಾಯಯುತ ಬಳಕೆಗೆ ಒತ್ತು
ಸುದ್ದಿದಿನ,ದೆಹಲಿ:ಕೇಂದ್ರ ಸರ್ಕಾರವು ’ಕೋಲ್ಸೇತು’ ನೀತಿಯನ್ನು ಅನುಮೋದಿಸಿದೆ. ಇದು ವಿವಿಧ ಕೈಗಾರಿಕಾ ಬಳಕೆಗಳು ಮತ್ತು ರಫ್ತಿಗೆ ಕಲ್ಲಿದ್ದಲು ಸಂಪರ್ಕಗಳ ಹರಾಜಿಗೆ ಹೊಸ ವ್ಯವಸ್ಥೆ ಸೃಷ್ಟಿಸುತ್ತದೆ, ಹಾಗೂ ಸಂಪನ್ಮೂಲಗಳ ನ್ಯಾಯಯುತ ಪ್ರವೇಶ ಮತ್ತು ಅತ್ಯುತ್ತಮ ಬಳಕೆಯನ್ನು ಖಚಿತಪಡಿಸುತ್ತದೆ.
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿಯು ನಿನ್ನೆ ತಡೆರಹಿತ, ದಕ್ಷ ಮತ್ತು ಪಾರದರ್ಶಕ ಬಳಕೆಗಾಗಿ ಕಲ್ಲಿದ್ದಲು ಸಂಪರ್ಕದ ಹರಾಜು ನೀತಿಗೆ ಅನುಮೋದನೆ ನೀಡಿತು.
ನವದೆಹಲಿಯಲ್ಲಿ ನಿನ್ನೆ ಸಂಜೆ ಸಂಪುಟದ ನಿರ್ಧಾರಗಳ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್, 2016ರ ಎನ್ಆರ್ಎಸ್ ನಿಯಂತ್ರಿತವಲ್ಲದ ವಲಯದ ಸಂಪರ್ಕ ಹರಾಜು ನೀತಿಯಲ್ಲಿ ’ಕೋಲ್ಸೇತು’ ಎಂಬ ಪ್ರತ್ಯೇಕ ವ್ಯವಸ್ಥೆಯನ್ನು ಸೇರಿಸುವ ಮೂಲಕ ಯಾವುದೇ ಕೈಗಾರಿಕಾ ಬಳಕೆ ಮತ್ತು ರಫ್ತಿಗೆ ದೀರ್ಘಾವಧಿಯವರೆಗೆ ಹರಾಜು ಆಧಾರದ ಮೇಲೆ ಕಲ್ಲಿದ್ದಲು ಸಂಪರ್ಕಗಳ ಹಂಚಿಕೆಗೆ ಈ ನೀತಿಯು ಅವಕಾಶ ನೀಡುತ್ತದೆ ಎಂದು ಹೇಳಿದರು.
ಕಲ್ಲಿದ್ದಲು ಅಗತ್ಯವಿರುವ ಯಾವುದೇ ದೇಶೀಯ ಖರೀದಿದಾರರು ಅಂತಿಮ ಬಳಕೆಯನ್ನು ಲೆಕ್ಕಿಸದೆ ಸಂಪರ್ಕ ಹರಾಜಿನಲ್ಲಿ ಭಾಗವಹಿಸಬಹುದು ಎಂದು ಅವರು ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoಬೆಂಬಲ ಬೆಲೆ | ಮೆಕ್ಕೆಜೋಳ ಖರೀದಿ ಪ್ರಕ್ರಿಯೆ ಪ್ರಾರಂಭ: ಡಿಸಿ ಗಂಗಾಧರಸ್ವಾಮಿ
-
ದಿನದ ಸುದ್ದಿ7 days agoಯಮ ಸ್ವರೂಪಿ ಗ್ಯಾಸ್ ಗೀಸರ್ ಬಳಸೋ ಮುನ್ನ ಎಚ್ಚರ ; ಇವಿಷ್ಟನ್ನು ಪಾಲಿಸಿ ಅಪಾಯ ತಡೆಗಟ್ಟಿ
-
ದಿನದ ಸುದ್ದಿ5 days agoಪತ್ರಿಕೋದ್ಯಮ ಪದವೀಧರರಿಗೆ ಸಿಹಿ ಸುದ್ದಿ | ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ತರಬೇತಿ ; ಅರ್ಜಿ ಆಹ್ವಾನ
-
ದಿನದ ಸುದ್ದಿ3 days agoಕೋಲ್ಸೇತು ನೀತಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ; ಸಂಪನ್ಮೂಲಗಳ ನ್ಯಾಯಯುತ ಬಳಕೆಗೆ ಒತ್ತು
-
ದಿನದ ಸುದ್ದಿ3 days agoಮಹಿಳೆಯರ ಪುನರ್ ವಸತಿ ಯೋಜನೆ | ಅರ್ಜಿ ಆಹ್ವಾನ ; ಅವಧಿ ವಿಸ್ತರಣೆ
-
ದಿನದ ಸುದ್ದಿ4 days agoಅಂಚೆ ಇಲಾಖೆಯಿಂದ ಸೆಲ್ಪ್ ಬುಕ್ಕಿಂಗ್ ಸೌಲಭ್ಯ
-
ದಿನದ ಸುದ್ದಿ3 days ago2027ರ ಜನಗಣತಿ ನಡೆಸಲು ಬಜೆಟ್ ಅಂಗೀಕಾರ
-
ದಿನದ ಸುದ್ದಿ9 hours agoಡಾ. ಶಾಮನೂರು ಶಿವಶಂಕರಪ್ಪ ನಿಧನ ; ವೀರಶೈವ ವಿಧಿವಿಧಾನದಂತೆ ಕಲ್ಲೇಶ್ವರ ಮಿಲ್ನಲ್ಲಿ ಅಂತ್ಯ ಸಂಸ್ಕಾರ

