ದಿನದ ಸುದ್ದಿ
ಲಜ್ಜೆಗೆಟ್ಟ ರಾಜಕಾರಣಕ್ಕೆ ಕರ್ನಾಟಕವೇ ತವರು..!
- ನಾ ದಿವಾಕರ
ಮೂರು ನಾಲ್ಕು ದಶಕಗಳ ಹಿಂದೆ ಉತ್ತರ ಭಾರತದ ಹಲವು ರಾಜ್ಯಗಳು ‘ ಆಯಾರಾಂ ಗಯಾರಾಂ ’ ಪಕ್ಷಾಂತರ ರಾಜಕಾರಣದಿಂದ ಕಲುಷಿತಗೊಂಡು ಕಂಗೆಟ್ಟಿದ್ದ ಸಂದರ್ಭದಲ್ಲಿ ಕರ್ನಾಟಕ ಮೌಲ್ಯಾಧಾರಿತ ರಾಜಕಾರಣಕ್ಕೆ ಹೆಸರಾಗಿತ್ತು. ಅಧಿಕಾರಸ್ಥ ರಾಜಕಾರಣಿಗಳ ಉತ್ತರದಾಯಿತ್ವದ ಪ್ರಜ್ಞೆ ಮತ್ತು ಕೊಂಚ ಮಟ್ಟಿನ ಪ್ರಾಮಾಣಿಕತೆ ರಾಜ್ಯ ರಾಜಕಾರಣದಲ್ಲಿ ಹೊಸ ಅಲೆ ಸೃಷ್ಟಿಸಿತ್ತು.
ಪಕ್ಷಾಂತರ, ಭಿನ್ನಮತೀಯ ರಾಜಕಾರಣ, ಪಕ್ಷಭೇದ ಮತ್ತು ಹೊಸ ಪಕ್ಷಗಳ ಸ್ಥಾಪನೆ ಇವೆಲ್ಲದರ ನಡುವೆಯೇ ರಾಜ್ಯದಲ್ಲಿ, ಅಧಿಕಾರ ಪೀಠದಲ್ಲಿರುವವರು ‘ ನೈತಿಕ ಹೊಣೆ ’ ಎನ್ನುವ ಪದಗಳ ಅರ್ಥವನ್ನು ಬಲ್ಲವರಾಗಿದ್ದರು. ಅಪವಾದಗಳಿಂದ ಮುಕ್ತವಾದ ರಾಜಕಾರಣ ಅಸಾಧ್ಯವೇ ಆದರೂ ತಮ್ಮ ಮೇಲಿನ ಅಪವಾದಗಳನ್ನು ಸ್ವೀಕರಿಸಿ, ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡುವ ಒಂದು ಪರಂಪರೆಗೆ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗ್ಗಡೆ ಸಾಕ್ಷಿಯಾಗಿದ್ದರು.
ಅಬ್ದುಲ್ ನಜೀರ್ ಸಾಬ್ ಅವರಂತಹ ನಿಸ್ಪೃಹ, ಪ್ರಾಮಾಣಿಕ, ಸರಳ ಸಜ್ಜನಿಕೆಯ ರಾಜಕಾರಣಿಯೊಬ್ಬರು ಈ ನೆಲದ ಮೇಲೆ ಓಡಾಡಿದ್ದರು ಎನ್ನುವುದು ಹೆಮ್ಮೆಯ ವಿಚಾರ. ಆದರೆ ಇಂತಹ ಒಂದು ವ್ಯಕ್ತಿತ್ವ ಕೇವಲ ಮೂರು ನಾಲ್ಕು ದಶಕಗಳ ಒಳಗೆ ಪ್ರಾಚೀನ ಶಿಲಾಶಾಸನದಂತೆ ಕಾಣುತ್ತಿರುವುದು ದುರಂತ.
ನಜೀರ್ ಸಾಬ್ ಮೂರು ನಾಲ್ಕು ಪೀಳಿಗೆಯ ರಾಜಕಾರಣಿಗಳಿಗೆ ಪ್ರೇರಣೆಯಾಗಬೇಕಿತ್ತು, ಸ್ಪೂರ್ತಿಯಾಗಬೇಕಿತ್ತು. ಆದರೆ ಅವರ ಒಡನಾಟದಲ್ಲಿದ್ದವರೂ ಇಂದು ಭ್ರಷ್ಟ ಮಾರ್ಗಗಳಲ್ಲಿ ನಡೆಯುತ್ತಿರುವುದನ್ನು ನೋಡಿದರೆ, ನವ ಉದಾರವಾದದ ಕಾರ್ಪೋರೇಟ್ ರಾಜಕಾರಣ ನಮ್ಮ ದೇಶದ ರಾಜಕೀಯ ವಾತಾವರಣವನ್ನು ಎಷ್ಟು ಕಲುಷಿತಗೊಳಿಸಿದೆ ಎಂದು ಅರ್ಥವಾಗುತ್ತದೆ.
ಭಾರತದ ರಾಜಕಾರಣದಲ್ಲಿ ಪ್ರಾಮಾಣಿಕತೆ ಮತ್ತು ಸತ್ಯಸಂಧತೆಯೂ ಇತ್ತು ಎನ್ನುವುದು ಬಹುಶಃ ಮುಂದಿನ ಪೀಳಿಗೆಗೆ ಪುರಾಣ ಕಥನದಂತೆ ಕಾಣುತ್ತದೆ. ನಿಜ, ದೇಶ ಬದಲಾಗಿದೆ, ಜನರೂ ಬದಲಾಗಿದ್ದಾರೆ, ಹಾಗೆಯೇ ರಾಜಕಾರಣಿಗಳೂ ಬದಲಾಗಿದ್ದಾರೆ. ಆದರೆ ರಾಜಕೀಯ ರಂಗದಲ್ಲಿ ಉಂಟಾಗಿರುವ ಬದಲಾವಣೆ ದೇಶವನ್ನು ವಿನಾಶದತ್ತ ಕೊಂಡೊಯ್ಯುವಂತೆ ಕಾಣುತ್ತಿದೆ.
ಪಂಚಾಯತ್ ವ್ಯವಸ್ಥೆಗೆ ಒಂದು ಸ್ಪಷ್ಟ ಕಾಯಕಲ್ಪ ನೀಡಿದ ಕರ್ನಾಟಕದಲ್ಲಿ ನಾವು ಗ್ರಾಮ ಪಂಚಾಯತ್ ಸ್ಥಾನಗಳು ಹರಾಜಾಗುತ್ತಿರುವುದನ್ನು ಇತ್ತೀಚೆಗಷ್ಟೇ ನೋಡಿದ್ದೇವೆ. ಜನಪ್ರತಿನಿಧಿ ಎನ್ನುವ ಪದ ಅಧಿಕಾರ ಕೇಂದ್ರಗಳಲ್ಲಿ ತಮ್ಮ ಅಸ್ತಿತ್ವವನ್ನು ಕಳೆದುಕೊಂಡು ಹರಾಜು ಮಾರುಕಟ್ಟೆಯಲ್ಲಿ ಬಿಕರಿಯಾಗುತ್ತಿರುವ ಒಂದು ವಿಕೃತ ಪರಂಪರೆಗೆ ಕರ್ನಾಟಕವೇ ಪ್ರಧಾನ ಭೂಮಿಕೆಯಾಗಿರುವುದು ವಿಪರ್ಯಾಸ ಎನಿಸಿದರೂ ಸತ್ಯ.
ತತ್ವ, ಸಿದ್ಧಾಂತ ಮತ್ತು ಜನಸೇವೆ ಈ ಮೂರೂ ಉದಾತ್ತ ಚಿಂತನೆಗಳಿಗೆ ಎಂದೋ ತಿಲಾಂಜಲಿ ಕೊಟ್ಟಿರುವ ರಾಜ್ಯ ರಾಜಕಾರಣದಲ್ಲಿ ಇಂದು ಉಳಿದಿರುವುದು ಅಧಿಕಾರ ರಾಜಕಾರಣ ಮಾತ್ರ ಎನ್ನುವುದೂ ಅಷ್ಟೇ ಸತ್ಯ. ಏಕೆಂದರೆ ನವ ಉದಾರವಾದ ಮತ್ತು ಹಣಕಾಸು ಬಂಡವಾಳ ಊರ್ಜಿತವಾಗಲು ಬೇಕಿರುವುದು ಒಂದು ಪ್ರಬಲ ಸರ್ಕಾರ ಮತ್ತು ಶಿಥಿಲ ವಿರೋಧ.
ರಾಷ್ಟ್ರ ಮಟ್ಟದಲ್ಲಿ ಮತ್ತು ರಾಜ್ಯ ಮಟ್ಟದಲ್ಲಿ ಇದನ್ನು ಸಾಧಿಸಲಾಗಿದೆ. ಹಾಗಾಗಿಯೇ ರಾಜ್ಯದ ರೈತರ ಪಾಲಿಗೆ ಮರಣಶಾಸನವಾಗಲಿರುವ ಕೃಷಿ ಮಸೂದೆ, ಎಪಿಎಂಸಿ ಕಾಯ್ದೆಯ ತಿದ್ದುಪಡಿ, ಭೂ ಸ್ವಾಧೀನ ಕಾಯ್ದೆಯ ತಿದ್ದುಪಡಿ ಮತ್ತು ಗೋಹತ್ಯೆ ನಿಷೇಧ ಕಾಯ್ದೆಗಳ ವಿರುದ್ಧ ಒಂದು ಪ್ರಬಲ ರಾಜಕೀಯ ಹೋರಾಟ ರೂಪುಗೊಳ್ಳುತ್ತಿಲ್ಲ.
ಗೋಮಾಂಸ ಸೇವನೆಯ ಹಕ್ಕು ಬಾಧ್ಯತೆಗಳನ್ನು ಕುರಿತು ನಡೆಯುತ್ತಿರುವಷ್ಟು ರಾಜಕೀಯ ಚರ್ಚೆಗಳು, ವಾಗ್ವಾದಗಳು, ಗೋ ಹತ್ಯೆ ನಿಷೇಧದಿಂದ ರೈತಾಪಿಯ ಮೇಲೆ ಉಂಟಾಗುವ ವ್ಯತಿರಿಕ್ತ ಪರಿಣಾಮಗಳ ಬಗ್ಗೆ ನಡೆಯುತ್ತಿಲ್ಲ ಎನ್ನುವುದನ್ನೂ ಗಮನಿಸಬೇಕಿದೆ.
ಭೂ ಸ್ವಾಧೀನ ಕಾಯ್ದೆಯ ತಿದ್ದುಪಡಿಯಿಂದ ಕೃಷಿ ಭೂಮಿ ಉದ್ಯಮಿಗಳ ವಶವಾಗುವ ಅಪಾಯವನ್ನು ರೈತ ಸಂಘಟನೆಗಳು ಗ್ರಹಿಸಿವೆಯಾದರೂ, ರಾಜ್ಯದ ವಿರೋಧ ಪಕ್ಷಗಳು ಒಂದು ಸ್ಪಷ್ಟ ನಿಲುವು ತಳೆಯುವಲ್ಲಿ ವಿಫಲವಾಗಿವೆ. ಮಣ್ಣಿನ ಮಕ್ಕಳ ಪಕ್ಷ ಎಂಬ ಹೆಗ್ಗಳಿಕೆಯೊಂದಿಗೇ ತನ್ನ ಅಸ್ತಿತ್ವ ಉಳಿಸಿಕೊಂಡಿರುವ ಜಾತ್ಯತೀತ ಜನತಾ ದಳ ಭೂ ಸ್ವಾಧೀನ ಕಾಯ್ದೆಯ ತಿದ್ದುಪಡಿಗೆ ಬೆಂಬಲ ವ್ಯಕ್ತಪಡಿಸಿದೆ. ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಮಸೂದೆಗಳ ಬಗ್ಗೆ ಮೌನ ವಹಿಸಿದೆ.
ಈ ನಡುವೆಯೇ ಕರ್ನಾಟಕದ ರಾಜಕಾರಣ ಅಕ್ಷರಶಃ ಹರಾಜು ಮಾರುಕಟ್ಟೆಯಂತಾಗಿರುವುದನ್ನು ಗಂಭೀರವಾಗಿ ಪರಿಗಣಿಸಬೇಕಿದೆ. ಇತ್ತೀಚಿನ ಕೆಲವು ಬೆಳವಣಿಗೆಗಳು ಈ ಮಾರುಕಟ್ಟೆ ರಾಜಕಾರಣವನ್ನು ನಡುಬೀದಿಯಲ್ಲಿ ಬೆತ್ತಲಾಗಿ ನಿಲ್ಲಿಸಿಬಿಟ್ಟಿದೆ.
2008ರ ನಂತರದಲ್ಲಿ ನವ ಉದಾರವಾದಿ ಮಾರುಕಟ್ಟೆ ವ್ಯವಸ್ಥೆ ಜಾಗತಿಕ ಮಟ್ಟದಲ್ಲಿ ಎದುರಿಸಿದ ಬಿಕ್ಕಟ್ಟಿಗೂ, ಭಾರತದ ರಾಜಕಾರಣದಲ್ಲಿ ಕಾರ್ಪೋರೇಟ್ ಔದ್ಯಮಿಕ ಹಿತಾಸಕ್ತಿಗಳ ನೇರ ಪಾಲ್ಗೊಳ್ಳುವಿಕೆಗೂ ನೇರ ಸಂಬಂಧ ಇರುವುದನ್ನು ಈ ಮಾರುಕಟ್ಟೆ ರಾಜಕಾರಣದಲ್ಲಿ ಗುರುತಿಸಬಹುದು. ಪಕ್ಷಾಂತರ ನಿಷೇಧ ಕಾಯ್ದೆ ಮತ್ತು ಸಾಂವಿಧಾನಿಕ ನಿಯಮ, ಬದ್ಧತೆಗಳನ್ನು ಗಾಳಿಗೆ ತೂರಿ ರಾಜಕೀಯ ಪಕ್ಷಗಳು ಶಾಸಕರನ್ನು ಖರೀದಿಸಲು ಮುಂದಾಗಿದ್ದೂ ಸಹ ಈ ಬಿಕ್ಕಟ್ಟಿನ ನಂತರದಲ್ಲೇ ಎನ್ನುವುದನ್ನೂ ಗಮನಿಸಬೇಕು.
ಜನಸಾಮಾನ್ಯರು ಸುಸ್ಥಿರ ಸರ್ಕಾರ ಬಯಸುತ್ತಾರೆ, ಸುಭದ್ರ ಆಡಳಿತ ಅಪೇಕ್ಷಿಸುತ್ತಾರೆ ಆದರೆ ಒಂದೇ ಪಕ್ಷದ ಸ್ಪಷ್ಟ ಬಹುಮತದ ರಾಜಕೀಯ ಅಧಿಕಾರ ಜನಾಭಿಪ್ರಾಯದ ಒತ್ತಾಸೆಯಲ್ಲ. ಇದು ಮಾರುಕಟ್ಟೆಯ ಅನಿವಾರ್ಯತೆ. ಈ ಅನಿವಾರ್ಯತೆಯನ್ನು ಜನಾಭಿಪ್ರಾಯವಾಗಿ ರೂಪಿಸುವ ಹೊಣೆಯನ್ನು ಕಾರ್ಪೋರೇಟ್ ನಿಯಂತ್ರಿತ ಸುದ್ದಿ ಮಾಧ್ಯಮಗಳು ವಹಿಸಿಕೊಂಡಿವೆ.
ಇದರ ಪರಿಣಾಮ, ಕರ್ನಾಟಕದಲ್ಲಿ ‘ ಅನರ್ಹರ ರಾಜಕಾರಣ ’ ಎನ್ನುವ ಹೊಸ ಪರಿಕಲ್ಪನೆ ಹುಟ್ಟಿಕೊಂಡಿದೆ. ಒಂದು ಪಕ್ಷದಿಂದ ಆಯ್ಕೆಯಾಗಿ, ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು, ಅನರ್ಹ ಪಟ್ಟ ಪಡೆದು, ಅನರ್ಹರಾಗಿಯೇ ಮತ್ತೊಂದು ಪಕ್ಷದಿಂದ ಚುನಾವಣೆಗೆ ಸ್ಪರ್ಧಿಸಿ ಅಧಿಕಾರ ಪೀಠಕ್ಕೆ ಸನಿಹವಾಗುವ ಒಂದು ಅನಿಷ್ಟ ಪರಂಪರೆಗೆ ರಾಜ್ಯದ ಹಲವು ಅನುಭವಿ ರಾಜಕಾರಣಿಗಳೇ ಸ್ಪಷ್ಟ ಬುನಾದಿ ಹಾಕಿರುವುದು ದುರಂತವಾದರೂ ಸತ್ಯ. ಈ ಬೆಳವಣಿಗೆಯ ಹಿಂದೆ ಮಾರುಕಟ್ಟೆಯ ಶಕ್ತಿ ಇರುವುದನ್ನು ನಿರ್ಲಕ್ಷಿಸಲಾಗುವುದಿಲ್ಲ.
ಈ ನಡುವೆಯೇ ರಾಜ್ಯದ ಲಜ್ಜೆಗೆಟ್ಟ ರಾಜಕಾರಣ ಪರಾಕಾಷ್ಠೆ ತಲುಪಿದೆ. 17 ಮಂದಿ ಅನರ್ಹ ಶಾಸಕರ ಬಲದಿಂದ ಸರ್ಕಾರ ರಚಿಸಿದ ಬಿಜೆಪಿ ಮತ್ತು ತಮ್ಮ ರಾಜಕೀಯ ಅಸ್ತಿತ್ವಕ್ಕಾಗಿ ಅಸ್ಮಿತೆಗಳನ್ನೂ ಮಾರಿಕೊಂಡು ಬಿಕರಿಯಾಗಿರುವ ಶಾಸಕರು ರಾಜ್ಯ ಶಾಸನಸಭೆಯನ್ನು ತರಕಾರಿ ಮಾರುಕಟ್ಟೆಯಂತೆ ಬಳಸುತ್ತಿದ್ದಾರೆ. ಸಚಿವ ಪದವಿ, ನಿಗಮ ಮಂಡಲಿ ಅಧ್ಯಕ್ಷ ಪದವಿ ಇಲ್ಲದೆ ಹೋದರೆ ಈ ಜನ ನಾಯಕರ ಜನಸೇವೆಯೇ ಸ್ಥಗಿತವಾಗಿಬಿಡುತ್ತದೆ.
‘ಜನಸೇವೆಯೇ ಜನಾರ್ಧನ ಸೇವೆ’ ಎನ್ನುವ ಘೋಷವಾಕ್ಯ ಎಂದೋ ಮೂಲೆಗೆ ಸೇರಿದ್ದು ಇಂದು ಧನಾರ್ಜನೆಯೇ ಜನಸೇವೆಯ ಗುರಿಯಾಗಿರುವುದು ಸ್ಪಷ್ಟ. ಗ್ರಾಮಪಂಚಾಯತ್ ಮಟ್ಟದಲ್ಲಿ ಸ್ಥಾನಗಳೇ ಹರಾಜು ಹಾಕಲ್ಪಟ್ಟರೆ, ರಾಜ್ಯ ಸರ್ಕಾರದಲ್ಲಿ ಸಚಿವ ಪದವಿ ಹರಾಜು ಹಾಕಲಾಗುತ್ತಿದೆ. ಒಂದು ರಹಸ್ಯ ಸಿ ಡಿ ಇಡೀ ರಾಜ್ಯ ರಾಜಕಾರಣವನ್ನು ಬೆತ್ತಲಾಗಿಸುತ್ತಿದೆ. ಶಾಸಕರನ್ನು ಖುಲ್ಲಂಖುಲ್ಲಾ ಖರೀದಿಸುವ ಪ್ರಕ್ರಿಯೆಗೆ ಆಪರೇಷನ್ ಕಮಲ ಹೆಸರಿನಲ್ಲಿ ಚಾಲನೆ ನೀಡಿದ ಬಿಜೆಪಿಯ ನಾಯಕತ್ವ ಇಂದಿನ ಹದಗೆಟ್ಟ ಪರಿಸ್ಥಿಗೆ ಸಂಪೂರ್ಣ ಹೊಣೆ ಹೊರಬೇಕಿದೆ.
17 ಶಾಸಕರನ್ನು ಬಿಜೆಪಿಗೆ ತರಲು ನೂತನ ಸಚಿವ ಯೋಗೇಶ್ವರ್ 9 ಕೋಟಿ ರೂ ಸಾಲ ಮಾಡಿದ್ದಾರೆ ಎಂದು ಮತ್ತೋರ್ವ ಮಾಜಿ ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಅಂದರೆ ಈ ಶಾಸಕರ ನಿಷ್ಠೆಯನ್ನು ಖರೀದಿಸಲು ಹಣಕಾಸು ವ್ಯವಹಾರ ನಡೆದಿದೆ ಎನ್ನುವುದು ಸ್ಪಷ್ಟವಾಗುತ್ತದೆ. 9 ಕೋಟಿ ರೂ ಸಾಲ ಮಾಡುವ ವ್ಯಕ್ತಿ 90 ಕೋಟಿ ರೂ ಖರ್ಚು ಮಾಡುವ ಸಾಮರ್ಥ್ಯ ಹೊಂದಿರುತ್ತಾನೆ.
ಪ್ರಜಾತಂತ್ರ ವ್ಯವಸ್ಥೆಯಲ್ಲಿ ಜನರು ನಿಷ್ಠೆಯಿಂದ ಪವಿತ್ರ ಮತ ಚಲಾಯಿಸುವ ಮೂಲಕ ಆಯ್ಕೆ ಮಾಡಿ ಶಾಸನಸಭೆಗೆ ಕಳುಹಿಸುವ ಶಾಸಕರು ಈ ರೀತಿ ಬಿಕರಿಯಾಗುವುದೇ ಪ್ರಜಾತಂತ್ರ ಮೌಲ್ಯಗಳಿಗೆ ಅಪಚಾರ ಎಸಗಿದಂತಲ್ಲವೇ ? ಈ ಕನಿಷ್ಠ ಪ್ರಜ್ಞೆ ರಾಜಕಾರಣಿಗಳಲ್ಲಿ ಇರುವುದಿಲ್ಲ ಏಕೆಂದರೆ ಅವರ ದೃಷ್ಟಿ ಅಧಿಕಾರ ಪೀಠದ ಮೇಲಿರುತ್ತದೆ. ಆದರೆ ಪ್ರಜ್ಞಾವಂತ ನಾಗರಿಕರಲ್ಲಿ ಈ ಪ್ರಜ್ಞೆ ಇರಬೇಕಲ್ಲವೇ ?
ಮುಖ್ಯಮಂತ್ರಿ ಯಡಿಯೂರಪ್ಪ ಬ್ಲಾಕ್ಮೇಲ್ ರಾಜಕಾರಣಕ್ಕೆ ಬಲಿಯಾಗಿದ್ದಾರೆ ಎಂದು ನಿರೂಪಿಸಲು ತಮ್ಮ ಬಳಿ ಇರುವ ರಹಸ್ಯ ಸಿ ಡಿ ಒಂದನ್ನು ಗುರಾಣಿಯಂತೆ ಬಳಸುತ್ತಿರುವ ಬಸನಗೌಡ ಪಾಟಿಲ್ ಯತ್ನಾಳ್ ಅವರಿಗೆ ಸಂವಿಧಾನ ಮತ್ತು ಸಾಂವಿಧಾನಿಕ ಮೌಲ್ಯಗಳ ಬಗ್ಗೆ ಕಿಂಚಿತ್ತಾದರೂ ಗೌರವ ಇದ್ದಿದ್ದಲ್ಲಿ ಈ.
ಸಿ ಡಿಯನ್ನು ಎಂದೋ ಸಾರ್ವಜನಿಕರ ಮುಂದೆ ಬಹಿರಂಗಪಡಿಸುತ್ತಿದ್ದರು. ತಮ್ಮ ಸ್ವಾರ್ಥ ಸಾಧನೆಗೆ ‘ಯಾರೂ ನೋಡಲಾಗದಂತಹ’ ಸಿ ಡಿ ಒಂದನ್ನು ಅಸ್ತ್ರವನ್ನಾಗಿ ಬಳಸುವುದು ಹೊಲಸು ರಾಜಕಾರಣವಲ್ಲವೇ ? ಒಂದು ವೇಳೆ ಯತ್ನಾಳ್ ಅವರ ಬೇಡಿಕೆಗಳು ಈಡೇರಿದರೆ ಈ
ಸಿ ಡಿಯಲ್ಲಿ ಇರಬಹುದಾದ ಅವ್ಯವಹಾರಗಳ ದಾಖಲೆಗಳು ಶಾಶ್ವತವಾಗಿ ಭೂಗತವಾಗಿಬಿಡುತ್ತವೆ ಅಲ್ಲವೇ ?
ಸಿ ಡಿ ರಾಜಕಾರಣ, ರೆಸಾರ್ಟ್ ರಾಜಕಾರಣ ಮತ್ತು ಬ್ಲಾಕ್ಮೇಲ್ ರಾಜಕಾರಣ ಈ ಮೂರೂ ವಿದ್ಯಮಾನಗಳ ಹಿಂದೆ ಕಾರ್ಪೋರೇಟ್ ಬಂಡವಾಳ, ಕರಾಳ ದಂಧೆಯ ಕಪ್ಪುಹಣ ಮತ್ತು ಮಾರುಕಟ್ಟೆ ಮಾಫಿಯಾದ ಛಾಯೆ ಇರುವುದನ್ನು ಗಮನಿಸದೆ ಹೋದರೆ ಬಹುಶಃ ಮುಂದಿನ ದಿನಗಳಲ್ಲಿ ಚುನಾವಣೆಗಳೇ ಒಂದು ಹಾಸ್ಯ ಪ್ರಹಸನವಾಗಿಬಿಡುತ್ತದೆ. ಇಡೀ ಪ್ರಜಾತಂತ್ರ ವ್ಯವಸ್ಥೆಯನ್ನು ಮಾರುಕಟ್ಟೆ ಶಕ್ತಿಗಳು ಆಕ್ರಮಿಸುತ್ತವೆ.
ಜನರು ಜನಪ್ರತಿನಿಧಿಗಳಿಗೆ ಮತ ನೀಡಿದರೆ, ಧನಿಕರು ಧನಪ್ರತಿನಿಧಿಗಳನ್ನು ಶಾಸನ ಸಭೆಗಳಿಗೆ ಕಳಿಸುತ್ತಾರೆ. ಏಕಂದರೆ ಹಣಕಾಸು ಬಂಡವಾಳಿಗರ ಹೂಡಿಕೆಗೆ ವಂದಿಮಾಗಧರ ಬೃಹತ್ ಪಡೆಯ ಅವಶ್ಯಕತೆ ಇರುತ್ತದೆ. ಕೇಂದ್ರ ಸರ್ಕಾರದ ಕೃಷಿ ಮಸೂದೆಗಳು ಇದಕ್ಕೊಂದು ಸ್ಪಷ್ಟ ಉದಾಹರಣೆ. 101 ರೈತರ ಸಾವಿಗೆ ಕನಿಷ್ಠ ಅನುಕಂಪ ತೋರುವುದಕ್ಕೂ ಮುಂದಾಗದ ನರೇಂದ್ರ ಮೋದಿ ಸರ್ಕಾರ ಮಾರುಕಟ್ಟೆ ಶಕ್ತಿಗಳ ಕಬಂಧ ಬಾಹುಗಳಲ್ಲಿ ಸಿಲುಕುವ ಒಂದು ಚುನಾಯಿತ ಸರ್ಕಾರ ಹೇಗಿರುತ್ತದೆ ಎನ್ನುವುದನ್ನು ನಿರೂಪಿಸಿದೆ.
ಈ ಹಿನ್ನೆಲೆಯಲ್ಲೇ ಕರ್ನಾಟಕದ ಇತ್ತೀಚಿನ ರಾಜಕೀಯ ಬೆಳವಣಿಗೆಗಳನ್ನು ಗಮನಿಸಬೇಕಿದೆ. ಮೊದಲು ಶಾಸಕರಲ್ಲಿ ಎರಡೇ ಪ್ರಭೇದಗಳಿದ್ದವು. ಹಾಲಿ ಮತ್ತು ಮಾಜಿ. ಈಗ ಅರ್ಹ-ಅನರ್ಹ, ಸಂತೃಪ್ತ-ಅತೃಪ್ತ, ಮೂಲ-ವಲಸಿಗ ಹೀಗೆ ಹಲವು ಪ್ರಭೇದಗಳು ಹುಟ್ಟಿಕೊಂಡಿವೆ.
ಈ ಗೊಂದಲದ ನಡುವೆ ‘ ಪ್ರಾಮಾಣಿಕ ಶಾಸಕ ’ ರ ಸಂತತಿಯೇ ನಶಿಸುತ್ತಿದೆ. ‘ ಜನಪರ ಕಾಳಜಿ ’ ಮತ್ತು ‘ ಜನ ಸೇವೆ ’ ಎಂಬ ಪರಿಕಲ್ಪನೆಗಳು ಹರಾಜು ಮಾರುಕಟ್ಟೆಯಲ್ಲಿ ಬಿಕರಿಯಾಗುವ ಕಚ್ಚಾ ವಸ್ತುಗಳಾಗಿದ್ದು, ಇವೆರಡರ ಪರಿವೆಯೇ ಇಲ್ಲದ ನಾಯಕರಿಗೆ ಮಾರುಕಟ್ಟೆಯಲ್ಲಿ ಅತಿ ಹೆಚ್ಚು ಬೆಲೆ ನಿಗದಿಯಾಗುತ್ತದೆ. 17 ಶಾಸಕರನ್ನು ಒಂದುಗೂಡಿಸಲು 9 ಕೋಟಿ ರೂ ಖರ್ಚು ಮಾಡುವ ಒಂದು ವ್ಯವಸ್ಥೆಗೆ ಇದೂ ಒಂದು ಕಾರಣ.
ಕೆಂಗಲ್ ಹನುಮಂತಯ್ಯನವರಿಂದ ಜೆ ಹೆಚ್ ಪಟೇಲ್ ವರೆಗಿನ ಒಂದು ರಾಜಕೀಯ ಪರಂಪರೆ ಪ್ರಾಚೀನ ವ್ಯವಸ್ಥೆಯ ಪಳೆಯುಳಿಕೆಯಂತೆ ಕಂಡುಬಂದರೆ, ಈ ಅಧಃಪತನದ ಹಿಂದೆ ಮಾರುಕಟ್ಟೆ ಬಂಡವಾಳ ಮತ್ತು ಅಧಿಕಾರ ರಾಜಕಾರಣದ ಹಂಬಲ ಪ್ರಬಲ ಶಕ್ತಿಗಳಾಗಿ ಕಂಡುಬರುತ್ತವೆ.
ಈ ನಡುವೆ ರಾಜ್ಯ ರಾಜಕಾರಣದಲ್ಲಿ ಸದಾ ಕೇಳಿಬರುತ್ತಿದ್ದ ಮೌಲ್ಯ, ತತ್ವ , ಸಿದ್ಧಾಂತ ಮತ್ತು ಸಾಂವಿಧಾನಿಕ ಬದ್ಧತೆ ಮುಂತಾದ ಪದಗಳು ಇತಿಹಾಸದ ಕಸದಬುಟ್ಟಿ ಸೇರಿಬಿಟ್ಟಿವೆ. ಈ ಹೊಲಸು ರಾಜಕಾರಣಕ್ಕೆ ಕರ್ನಾಟಕವೇ ತವರು ಎನ್ನುವುದು ಚರಿತ್ರೆಯ ದೊಡ್ಡ ದುರಂತ. ಆದರೆ ಇದು ವಾಸ್ತವ.
ಈ ಪರಿಸ್ಥಿತಿಗೆ ಯಾರು ಕಾರಣ ? ಪ್ರಜ್ಞೆ ಕಳೆದುಕೊಂಡಿರುವ ನಾಗರಿಕರೋ ಸ್ವಂತಿಕೆ ಕಳೆದುಕೊಂಡಿರುವ ರಾಜಕಾರಣಿಗಳೋ ? ನಜೀರ್ ಸಾಬ್ ಕೇಳ್ತಿದಾರೆ, ಉತ್ತರ ಕೊಡಿ !
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಇಂಗ್ಲೀಶ್ ಪಠ್ಯಕ್ರಮ ಕಾರ್ಯಗಾರ
ಸುದ್ದಿದಿನ,ದಾವಣಗೆರೆ:ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಹಾಗೂ ದಾವಣಗೆರೆ ವಿಶ್ವವಿದ್ಯಾಲಯದ ಇಂಗ್ಲೀಷ್ ಪ್ರಾಧ್ಯಾಪಕರ ವೇದಿಕೆಯ (FODCET) ಸಂಯುಕ್ತ ಆಶ್ರಯದಲ್ಲಿ “ರಾಜ್ಯ ಶಿಕ್ಷಣ ನೀತಿ (S.E.P) ಇಂಗ್ಲೀಷ್ ಪಠ್ಯಕ್ರಮ” ಕುರಿತ ಒಂದು ದಿನದ ಕಾರ್ಯಗಾರವನ್ನು ದಿನಾಂಕ 02-03-2026 ರಂದು ಉದ್ಘಾಟಿಸಲಾಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಕರಿಬಸಪ್ಪ ನೆರವೇರಿಸಿದರು. ಮುಖ್ಯ ಅತಿಥಿಯಾಗಿ ದಾವಣಗೆರೆ ವಿಶ್ವವಿದ್ಯಾಲಯದ ಕಲಾ ನಿಕಾಯದ ಡೀನ್ ಡಾ. ಲೋಕೇಶ್ ಎಂ.ಯು. ಭಾಗವಹಿಸಿ, ಎಸ್.ಇ.ಪಿ ಪಠ್ಯಕ್ರಮದ ಉದ್ದೇಶ, ವಿನ್ಯಾಸ ಮತ್ತು ಪರಿಣಾಮಕಾರಿತ್ವದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಇಂಗ್ಲೀಷ್ ವಿಭಾಗದ ಸಂಯೋಜಕರಾದ ಡಾ. ಫಕ್ಕೀರೇಶ ಹಳ್ಳಳ್ಳಿ ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿದರು.
ಈ ಕಾರ್ಯಗಾರದಲ್ಲಿ ದಾವಣಗೆರೆ ವಿಶ್ವವಿದ್ಯಾಲಯ ವ್ಯಾಪ್ತಿಯ ಎಲ್ಲಾ ಸರ್ಕಾರಿ, ಖಾಸಗಿ ಅನುದಾನಿತ ಹಾಗೂ ಅನುದಾನರಹಿತ ಪದವಿ ಕಾಲೇಜುಗಳಲ್ಲಿ ಇಂಗ್ಲೀಷ್ ಭಾಷೆ ಮತ್ತು ಸಾಹಿತ್ಯ ಬೋಧಿಸುವ ಪ್ರಾಧ್ಯಾಪಕರು ಭಾಗವಹಿಸಿ, ಪಠ್ಯಕ್ರಮದ ಅನುಷ್ಠಾನ, ಬೋಧನಾ ವಿಧಾನಗಳು ಹಾಗೂ ಮೌಲ್ಯಮಾಪನ ಕ್ರಮಗಳ ಕುರಿತು ವಿಚಾರ ವಿನಿಮಯ ನಡೆಸಿದರು.ಸ.ಪ್ರ.ದ. ಮಹಿಳಾ ಕಾಲೇಜಿನಲ್ಲಿ ಇಂಗ್ಲೀಷ್ ಪಠ್ಯಕ್ರಮ ಕುರಿತ ಮಹತ್ವದ ಕಾರ್ಯಗಾರ ಯಶಸ್ವಿ.
ವೇದಿಕೆಯಲ್ಲಿ ಪ್ರಾಧ್ಯಾಪಕರಾದ ಡಾ. ಜಯಪ್ಪ, ಡಾ. ಭೀಮಪ್ಪ, ಡಾ. ಮಹೇಶ್ ನಾಯ್ಕ್, ಡಾ.ಮಧುಸೂದನ್, ಡಾ. ವಿಜಯಕುಮಾರ್, ಡಾ. ನಾಗನಗೌಡ ಹಾಗೂ ಡಾ. ಶಿವರಾಜ್, ಡಾ. ತ್ರಿವೇಣಿ, ಡಾ. ಶಶಿಕಲಾ ಉಪಸ್ಥಿತರಿದ್ದರು.
ಐ ಕ್ಯೂ ಏ ಸಿ ಸಂಯೋಜಕರು ಮತ್ತು ಆಂಗ್ಲ ವಿಭಾಗದ ಮುಖ್ಯಸ್ಥರಾದ ಡಾ. ಭೀಮಪ್ಪ ಎಂ ಪಿ ಕಾರ್ಯಕ್ರಮದ ಕುರಿತು ಪ್ರಸ್ತಾಪಿಸಿ ಮತ್ತು ಸ್ವಾಗತಿಸಿದರು, ಇತಿಹಾಸ ವಿಭಾಗದ ಮುಖ್ಯಸ್ಥರು ವಂದಿಸಿದರು ಮತ್ತು ಪ್ರೂ. ಮಂಜುನಾಥ ಜಿ ಕಾರ್ಯಕ್ರಮವನ್ನು ನಿರೂಪಿಸಿದರು.
ಇಂಗ್ಲೀಷ್ ಮೇಜರ್ ನಲ್ಲಿ ರ್ಯಾಂಕ್ ಪಡೆದವಿದ್ಯಾರ್ಥಿನಿಯರನ್ನು ಇಂಗ್ಲಿಷ್ ವಿಭಾಗದಿಂದ ಸನ್ಮಾನಿಸಲಾಯಿತು. ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮೆಗಾ ಉದ್ಯೋಗ ಮೇಳ ವಿದ್ಯಾಭ್ಯಾಸದೊಂದಿಗೆ ಕೌಶಲ್ಯತೆಗೂ ಆದ್ಯತೆ ನೀಡಿ : ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್
ಸುದ್ದಿದಿನ,ದಾವಣಗೆರೆ:ಮಕ್ಕಳಿಗೆ ಸರಿಯಾದ ವಿದ್ಯಾಭ್ಯಾಸದ ಜೊತೆಗೆ ಕೌಶಲ್ಯ ಶಿಕ್ಷಣಕ ಕಲಿಸಬೇಕು. ಯುವ ಜನತೆ ವಿದ್ಯಾರ್ಥಿ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕೆಂದು ಎಂದು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.
ಸೋಮವಾರ(ಫೆ.23) ರಂದು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಷ್ಟಿçÃಯ ಗ್ರಾಮೀಣ ಜೀವನೋಪಾಯ ಅಭಿಯಾನ, ಮಹಾನಗರಪಾಲಿಕೆ, ಜಿಲ್ಲಾ ಕೌಶಲ್ಯಾ ಮಿಷನ್, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇವರ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಬೃಹತ್ ಉದ್ಯೋಗ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಅವರು
ಯುವನಿಧಿ ಯೋಜನೆಯಡಿ ರಾಜ್ಯದಲ್ಲಿ 3,62,000 ಅಭ್ಯರ್ಥಿಗಳು ನೋಂದಾಯಿಸಿಕೊAಡಿದ್ದು, ಜಿಲ್ಲೆಯಲ್ಲಿ 10,404 ಪದವಿಧರರು, 226 ಡಿಪ್ಲೋಮ ಆದವರು ಯುವನಿಧಿಯ ಸೌಲಭ್ಯ ಪಡೆಯುತ್ತಿದ್ದಾರೆ. ಇದರಲ್ಲಿ 2326 ಯುವಕ, ಯುವತಿಯರಿಗೆ ಬೇರೆ ಬೇರೆ ಉದ್ಯೋಗ ಮೇಳದಲ್ಲಿ ಉದ್ಯೋಗ ದೊರತಿದೆ. 2024-25ನೇ ಸಾಲಿನಲ್ಲಿ ಸುಮಾರು 33 ಕೋಟಿ, 22 ಲಕ್ಷ ಹಣ ಸಂದಾಯವಾಗಿದೆ. ರಾಜ್ಯದಲ್ಲಿ ಕೌಶಲ್ಯಾಭಿವೃದ್ದಿ ಯೋಜನೆಯಡಿ 17,715 ಅಭ್ಯರ್ಥಿಗಳಿಗೆ ತರಬೇತಿ ನೀಡಿದ್ದು, 2376 ಅಭ್ಯರ್ಥಿಗಳಿಗೆ ಉದ್ಯೋಗ ದೊರತಿದೆ.
ಜೊತೆಗೆ ಪದವಿ ಉತ್ತೀರ್ಣ ವಿದ್ಯಾರ್ಥಿಗಳು ಸಿವಿಲ್ ಸರ್ವಿಸಸ್ ಸ್ಪರ್ಧಾತ್ಮಕ ಪರೀಕ್ಷೆಗೆ ಉಚಿತ ತರಬೇತಿ ನೀಡಲಾಗುತ್ತಿದೆ. ಒಟ್ಟಾರೆ ಯುವಜನತೆಗೆ ಐಎಎಸ್, ಕೆಎಎಸ್ ಈ ರೀತಿಯ ಉದ್ಯೋಗಾವಕಾಶಗಳು ಸಿಗುವಂತಾಗಲು ಎಸ್ಎಸ್ ಕೇರ್ ಟ್ರಸ್ಟ್ ನಿಂದ ತರಬೇತಿ ನೀಡಲಾಗುತ್ತಿದೆ.
ಯುವಕರು ಸ್ಕೂಲ್, ಕಾಲೇಜ್ಗೆ ಬಂದಾಗ ಅಲ್ಲಿರುವಂತಹ ವಿದ್ಯಾರ್ಥಿಗಳು ಸ್ಪೋರ್ಟ್ಸ್, ಕಲ್ಚರಲ್ ಆಕ್ಟಿವಿಟೀಸ್, ಜೊತೆಗೆ ಆನ್ಲೈನ್ ಕೋರ್ಸ್ಗಳಲ್ಲಿ ಭಾಗವಹಿಸಬೇಕು.
ಯಾವುದೇ ಕಂಪನಿಯ ಲಿಖಿತ ಪರೀಕ್ಷೆಗೆ ಹಾಜರಾದಾಗ ನಿಮ್ಮಲ್ಲಿ ಏನು ಲೋಪದೋಷ ಹೇಳಿದ್ರು, ಯಾವ ರೀತಿ ನೀವು ಮತ್ತೊಮ್ಮೆ ನಿಮ್ಮ ತಪ್ಪನ್ನು ಸರಿ ಮಾಡಿಕೊಳ್ಳಬಹುದು ಎನ್ನುವುದನ್ನು ಅರಿತು ಸಂದರ್ಶನ ಎದುರಿಸಬೇಕೆಂದರು.
ಉದ್ಯೋಗ ಮೇಳದಲ್ಲಿ ನೀಡಿದ ಪ್ರಮಾಣ ಪತ್ರ ಪಡೆದು ಆಯ್ಕೆಯಾದ ಕಂಪನಿಗೆ ವರದಿ ಮಾಡಿಕೊಳ್ಳಲು ಸಲಹೆ ನೀಡಿದರು.
ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಮಾತನಾಡಿ ಎಲ್ಲರಿಗೂ ಸರ್ಕಾರವೇ ಉದ್ಯೋಗ ನೀಡಲು ಆಗುವುದಿಲ್ಲ. ಜನರು ಸ್ವಯಂ ಬದುಕು ಕಟ್ಟಿಕೊಂಡು, ಉದ್ಯೋಗದಾತರಾಗಿ ಹೊರಹೊಮ್ಮಬೇಕು. ಶಿಕ್ಷಣ, ಜ್ಞಾನದ ಜೊತೆ ಕೌಶಲ್ಯತೆ ರೂಢಿಸಿಕೊಳ್ಳಬೇಕು. ಒಂದು ದೇಶದ ಪ್ರಗತಿ ಹಾಗೂ ಅಭಿವದ್ಧಿಗೆ ಯುವ ಶಕ್ತಿ ಪ್ರಮುಖವಾಗಿದ್ದು, ಉದ್ಯೋಗ ಮೇಳದಿಂದ ಯುವಕರಿಗೆ ಹೆಚ್ಚು ಲಾಭ ದೊರೆಯಲಿದೆ. ಇದರಿಂದ ಬದುಕು ಕಟ್ಟಿಕೊಂಡು ಯಶಸ್ಸು ಗಳಿಸಲು ಶ್ರಮಿಸಬೇಕು ಎಂದರು. ಯುವಕರು ದೇಶದ ಸಂಪತ್ತು. ಪ್ರತಿಯೊಬ್ಬರೂ ಯಾವುದಾದರೂ ಒಂದು ವೃತ್ತಿ ಮಾಡಬೇಕು. ಇದರಿಂದ ನಿಮ್ಮ ಭವಿಷ್ಯ ಉತ್ತಮವಾಗುತ್ತದೆ ಎಂದರು.
ಉದ್ಯೋಗದಾತ ಕಂಪನಿಗಳು ಕಾಲೇಜು ಆವರಣದಲ್ಲೇ ಮೇಳ ಆಯೋಜಿಸಿ, ಅಭ್ಯರ್ಥಿಗಳ ಸಂದರ್ಶನ ನಡೆಸಿ, ಅರ್ಹರಿಗೆ ಉದ್ಯೋಗ ನೀಡುತ್ತಿವೆ. ಇದು ವಿದ್ಯಾವಂತ ಬಡ ನಿರುದ್ಯೋಗಿಗಳಿಗೆ ಅನುಕೂಲವಾಗಿದೆ ಎಂದರು.
ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯುವಕರು ಕೇವಲ ಪದವಿ ಪಡೆದರೆ ಸಾಲದು, ತಾಂತ್ರಿಕ ಕೌಶಲ್ಯಗಳನ್ನು ರೂಢಿಸಿಕೊಳ್ಳಬೇಕು. ಬದ್ಧತೆ, ಸಮಯಪ್ರಜ್ಞೆ ಮತ್ತು ಆತ್ಮವಿಶ್ವಾಸವಿದ್ದರೆ ಯಾವುದೇ ಉದ್ಯೋಗವನ್ನು ಪಡೆಯಬಹುದು ಎಂದು ಯುವಜನತೆಗೆ ಕರೆ ನೀಡಿದರು. ತರಬೇತಿಯು ಹೆಚ್ಚು ಅಭ್ಯರ್ಥಿಗಳಿಗೆ ಮಾರ್ಗದರ್ಶನ ನೀಡುವಲ್ಲಿ ಯಶಸ್ವಿಯಾಗಿವೆ ಎಂದು ಅವರು ತಿಳಿಸಿದರು.
ಮೋನಿಕಾ, ಚಂದನಾ, ಸಿಂಚನಾ, ಸುಶೀಲಾ, ವಿನೂತ, ಸಾನಿಯಾ, ಶರತ್, ಅಶ್ವಿನಿ ಇನ್ನೂ ಕೆಲವು ಅಭ್ಯರ್ಥಿಗಳಿಗೆ ಸ್ಥಳದಲ್ಲೇ ಆದೇಶ ಪ್ರತಿಯನ್ನು ನೀಡಿದರು.
ಮೇಳದ ಪ್ರಮುಖ ಅಂಕಿ-ಅAಶಗಳು: ಭಾಗವಹಿಸಿದ ಕಂಪನಿಗಳು: 50ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು, 61 ವಿಶೇಷ ಚೇತನ ಅಭ್ಯರ್ಥಿಗಳು ಒಳಗೊಂಡು 1944 ಉದ್ಯೋಗಾಕಾಂಕ್ಷಿಗಳು, ಆಯ್ಕೆ ಹಂತ ತಲುಪಿದವರು: 421 ಅಭ್ಯರ್ಥಿಗಳು, ಸ್ಥಳದಲ್ಲೇ ನೇಮಕಾತಿ: 421 ಅಭ್ಯರ್ಥಿಗಳಿಗೆ ಅಂತಿಮ ನೇಮಕಾತಿ ಆದೇಶ ಪಡೆದಿರುತ್ತಾರೆ. ಹಾಗೂ 555 ಅಭ್ಯರ್ಥಿಗಳು ಶಾರ್ಟ್ ಲಿಸ್ಟ್ ಆಗಿ 2ನೇ ಹಂತದ ಸಂದರ್ಶನ ಅರ್ಹತೆ ಪಡೆದಿರುತ್ತಾರೆ.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠ್ಠಲ್ರಾವ್ ಪ್ರಾಸ್ತವಿಕ ನುಡಿಗಳಾನ್ನಾಡಿದರು.
ದೂಡಾ ಅಧ್ಯಕ್ಷರಾದ ದಿನೇಶ್.ಕೆ.ಶೆಟ್ಟಿ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರಾದ ಕೌಸರ್ ರೇಷ್ಮಾ, ಜಿಲ್ಲಾ ಗ್ಯಾರಂಟಿ ಯೋಜನೆಯ ಅಧ್ಯಕ್ಷರಾದ ಬಸವರಾಜ.ಟಿ.ಶಾಮನೂರು, ಉಪಾಧ್ಯಕ್ಷರಾದ ಮಂಜಣ್ಣ, ಪ್ರಾಂಶುಪಾಲರಾದ ಬಸವರಾಜ ತಹಶೀಲ್ದಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ರವಿಚಂದ್ರ, ಜಿ.ಪಂ ಮುಖ್ಯ ಯೋಜನಾಧಿಕಾರಿ ಮಲ್ಲನಾಯ್ಕ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಫೆಬ್ರವರಿ ಮಾಹೆಗೆ ಪಡಿತರ ಹಂಚಿಕೆ
ಸುದ್ದಿದಿನ,ದಾವಣಗೆರೆ:ಫೆಬ್ರವರಿ-26ರ ಮಾಹೆಗೆ ಅನ್ವಯವಾಗುವಂತೆ ವಿವಿಧ ವರ್ಗದ ಪಡಿತರ ಚೀಟಿದಾರರಿಗೆ ಪಡಿತರ ಹಂಚಿಕೆ ಮಾಡಲಾಗಿದೆ.
ಅಂತ್ಯೋದಯ ಕಾರ್ಡದಾರರಿಗೆ 1 ರಿಂದ 3 ಸದಸ್ಯರಿರುವ ಕಾರ್ಡಿಗೆ 35 ಕೆ.ಜಿ ಅಕ್ಕಿ, 4 ಸದಸ್ಯರಿರುವ ಪ್ರತಿ ಕಾರ್ಡಿಗೆ 40 ಕೆ.ಜಿ ಅಕ್ಕಿ, 5 ಸದಸ್ಯರಿರುವ ಪ್ರತಿ ಕಾರ್ಡಿಗೆ 50 ಕೆ.ಜಿ ಅಕ್ಕಿ, 6 ಸದಸ್ಯರಿರುವ ಪ್ರತಿ ಕಾರ್ಡಿಗೆ 60 ಕೆ.ಜಿ ಅಕ್ಕಿ, 7 ಸದಸ್ಯರಿರುವ ಪ್ರತಿ ಕಾರ್ಡಿಗೆ 70 ಕೆ.ಜಿ ಅಕ್ಕಿ, 8 ಸದಸ್ಯರಿರುವ ಪ್ರತಿ ಕಾರ್ಡಿಗೆ 80 ಕೆ.ಜಿ ಅಕ್ಕಿ, 9 ಸದಸ್ಯರಿರುವ ಪ್ರತಿ ಕಾರ್ಡಿಗೆ 90 ಕೆ.ಜಿ, 10 ಸದಸ್ಯರಿರುವ ಪ್ರತಿ ಕಾರ್ಡಿಗೆ 100 ಕೆ.ಜಿ ಅಕ್ಕಿಯನ್ನು ನೀಡಲಾಗುವುದು.
ಪೋರ್ಟಬಿಲಿಟಿ ಜಾರಿಯಲ್ಲಿರುವುದರಿಂದ ಯಾವುದೇ ಅಂತರ್ ರಾಜ್ಯ ಅಥವಾ ಜಿಲ್ಲೆಯ ಪಡಿತರ ಚೀಟಿಗಳಿಗೆ ಯಾವುದೇ ನ್ಯಾಯಬೆಲೆ ಅಂಗಡಿಗಳಲ್ಲಿ ಉಚಿತವಾಗಿ ಪಡೆಯಲು ಅವಕಾಶವಿರುತ್ತದೆ ಎಂದು ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243


