Connect with us

ನೆಲದನಿ

ಕತ್ತಲಗೆರೆ ತಿಪ್ಪಣ್ಣನೆಂಬ ಗ್ರಾಮೀಣ ಪ್ರತಿಭೆಯ ಹೋರಾಟದ ಹಾದಿ

Published

on

ಭಾರತದ ದಲಿತಪರ ಹೋರಾಟದ ಹಾದಿಯಲ್ಲಿ ಅಂಬೇಡ್ಕರರನ್ನು ಮಾದರಿಯಾಗಿಟ್ಟುಕೊಂಡು, ಅವರ ತತ್ವ-ಸಿದ್ಧಾಂತಗಳನ್ನು ಮೈಗೂಡಿಸಿಕೊಂಡು ಹಲವಾರು ವ್ಯಕ್ತಿಗಳು ತಮ್ಮ ಹೋರಾಟದ ಹಾದಿಯನ್ನು ನಡೆಸಿಕೊಂಡು ಬಂದಿದ್ದಾರೆ. ಅಂಬೇಡ್ಕರ್‍ವಾದದಿಂದ ಪ್ರಭಾವಿತರಾಗಿ, ಅವರ ತತ್ವಾದರ್ಶಗಳನ್ನು ತಮ್ಮಲ್ಲಿ ರೂಡಿಸಿಕೊಂಡು ಕರ್ನಾಟಕದಲ್ಲಿಯೂ ಬಹುತೇಕ ವಿಚಾರವಾದಿಗಳು ತಮ್ಮ ಹೋರಾಟವನ್ನು ಮುನ್ನಡೆಸಿಕೊಂಡು ಬಂದಿದ್ದಾರೆ.

ಅಂತಹ ಹೋರಾಟಗಾರರನ್ನು ಗುರುತಿಸಿ, ಅವರ ಹೋರಾಟದ ಹಾದಿಯ ಅನುಭವಗಳನ್ನು ಪರಿಚಯಿಸುವ ಉದ್ಧೇಶದಿಂದ ಪ್ರಸ್ತುತ ಲೇಖನವನ್ನು ರಚಿಸಲಾಗಿದೆ. ದಲಿತರ ಜಾಗೃತಿ, ವಿಮೋಚನೆ ಹಾಗೂ ಪ್ರಗತಿಗಾಗಿ ತಮ್ಮ ಬದುಕನ್ನು ಮುಡುಪಾಗಿಟ್ಟಿರುವ ದಲಿತ ಚಿಂತಕರನ್ನು ಶೋಧಿಸಲು ಮುಂದಾದಾಗ ಎಲೆಮರೆಯ ಕಾಯಿಯಂತಿರುವ ಬಹುತೇಕ ವಿಚಾರವಾದಿಗಳು ಕಂಡುಬಂದರು. ಇವರುಗಳಲ್ಲಿ ಬಹುತೇಕರು ದಲಿತರ ವಿಮೋಚನೆಗಾಗಿಯೇ ತಮ್ಮ ಬದುಕನ್ನು ಸಮರ್ಪಿಸಿಕೊಂಡವರಿದ್ದಾರೆ. ಅಂತಹ ಹೋರಾಟಗಾರರಲ್ಲಿ ಕತ್ತಲಗೆರೆ ತಿಪ್ಪಣ್ಣನವರು ಒಬ್ಬರಾಗಿದ್ದಾರೆ. ಇವರ ಹೋರಾಟದ ಕ್ರಮವು ಮುಂದಿನ ಯುವ ಹೋರಾಟಗಾರರಿಗೆ ಮಾದರಿಯಾಗಬಹುದೆಂದು ಭಾವಿಸಲಾಗಿದೆ. ಹೀಗಾಗಿ ತನ್ನ ವೈಯಕ್ತಿಕ ಬದುಕನ್ನು ಲೆಕ್ಕಿಸದೆ, ಸಮಾಜದ ಪ್ರಬಲ ವರ್ಗವನ್ನು ಎದುರುಹಾಕಿಕೊಂಡು, ದಲಿತರ ಉದ್ಧಾರಕ್ಕಾಗಿ ಶ್ರಮಿಸಿದ ಗ್ರಾಮೀಣ ಪ್ರತಿಭೆಯಾದ ಕತ್ತಲಗೆರೆ ತಿಪ್ಪಣ್ಣನೆಂಬ ದಲಿತ ಹೋರಾಟಗಾರನ ಹೋರಾಟದ ಹಾದಿಯನ್ನು ಪರಿಚಯಿಸುವುದು ಪ್ರಸ್ತುತ ಲೇಖನದ ಉದ್ಧೇಶವಾಗಿದೆ.

ಶ್ರೀಯುತ ಕತ್ತಲಗೆರೆ ತಿಪ್ಪಣ್ಣನವರು ದಾವಣಗೆರೆ ಜಿಲ್ಲೆಯ ಕತ್ತಲಗೆರೆ ಎಂಬ ಗ್ರಾಮದಲ್ಲಿ ದಿನಾಂಕ 16 ಜನವರಿ 1956ರಂದು ಶ್ರೀ ಉಳಿವಪ್ಪ ಶ್ರೀಮತಿ ನಾಗಮ್ಮ ಎಂಬ ದಂಪತಿಗಳ ಸುಪುತ್ರರಾಗಿ ದಲಿತ ಕುಟುಂಬದಲ್ಲಿ ಜನಿಸಿದರು. ಇವರು ಬಾಲ್ಯದಿಂದಲೂ ಬಡತನದ ಬವಣೆಯಲ್ಲಿಯೇ ತಮ್ಮ ಜೀವನವನ್ನು ಮುಂದುವರೆಸಿಕೊಂಡು ಬಂದವರಾಗಿದ್ದಾರೆ. ಇವರು ಎಂಟನೇ ತರಗತಿಯನ್ನು ಓದುವ ಸಮಯದಲ್ಲಿ ಇವರ ತಾಯಿ ಅನಾರೋಗ್ಯಕ್ಕೆ ತುತ್ತಾದರು. ಈ ಸಮಯದಲ್ಲಿ ಇವರ ತಾಯಿಗೆ ಚಿಕಿತ್ಸೆ ಕೊಡಿಸುವುದಕ್ಕೆ ಇವರ ತಂದೆಯ ಬಳಿ ಹಣವಿಲ್ಲದ ಕಾರಣ, ಬಾಲಕನಾಗಿದ್ದ ತಿಪ್ಪಣ್ಣನವರು ತನ್ನನ್ನು ಜೀತಕ್ಕೆ ನೇಮಿಸಿ ಹಣ ಪಡೆದು ತನ್ನ ತಾಯಿಗೆ ಚಿಕಿತ್ಸೆಯನ್ನು ಕೊಡಿಸುವಂತೆ ತಮ್ಮ ತಂದೆಗೆ ಸಲಹೆ ನೀಡಿದರು. ಅಸಹಾಯಕರಾದ ಇವರ ತಂದೆಯು ಮಗನ ಮಾತಿನಂತೆ ಇವರನ್ನು ಶಾಲೆಯಿಂದ ಬಿಡುಗಡೆಗೊಳಿಸಿ ವರ್ಷಕ್ಕೆ 25 ರೂಪಾಯಿಗೆ ಜೀತಕ್ಕೆ ಸೇರಿಸಿ, ಇವರ ತಾಯಿಗೆ ಚಿಕಿತ್ಸೆ ಕೊಡಿಸಿದರು. ಆದರೆ ಇವರ ತಾಯಿಯ ಕಾಯಿಲೆಯು ಮಾತ್ರ ಗುಣವಾಗದೆ ಕಲವೇ ದಿನಗಳಲ್ಲಿ ತಮ್ಮ ತಾಯಿಯನ್ನು ಕಳೆದುಕೊಂಡರು. ತಮ್ಮ ತಾಯಿಯ ಚಿಕಿತ್ಸೆಗೆಂದು ಪಡೆದ ಹಣವನ್ನು ತೀರಿಸಲು ಒಂದು ವರ್ಷಗಳ ಕಾಲ ಜೀತ ಮಾಡಿ ಹಣವನ್ನು ತೀರಿಸಬೇಕಾಯಿತು. ಈ ಕಾರಣದಿಂದಾಗಿ ತಿಪ್ಪಣ್ಣನವರ ಶಿಕ್ಷಣವು ಕುಂಟಿತವಾಯಿತು.

ತಿಪ್ಪಣ್ಣನವರು ತಮ್ಮ ತಾಯಿಯು ಮರಣ ಹೊಂದಿದ ತರುವಾಯದಲ್ಲಿ ಶಿಕ್ಷಣ ಪಡೆಯಲು ಸಾಧ್ಯವಾಗಲಿಲ್ಲ. ಈ ಸಮಯದಲ್ಲಿ ಇವರ ತಂದೆಯು ಇವರ ತಮ್ಮನನ್ನು ಕರೆದುಕೊಂಡು ಬೇರೆಡೆಗೆ ಹೊರಟು ಹೋದರು. ಆಗ ಇವರು ದಾವಣಗೆರೆಯಲ್ಲಿ ತಮ್ಮ ಸಂಬಂಧಿಕರ ಮನೆಯೊಂದರಲ್ಲಿ ಆಶ್ರಯ ಪಡೆದರು. ನಂತರ ಇವರು ಬೆಳೆದು ದೊಡ್ಡವರಾದ ಮೇಲೆ ಮದುವೆ ಮಾಡಿಕೊಂಡು ತಮ್ಮ ಊರಾದ ಕತ್ತಲಗೆರೆಯಲ್ಲಿ ಬಂದು ನೆಲೆಸಿದರು. ತಮ್ಮ ಸ್ವಗ್ರಾಮಕ್ಕೆ ಮರಳಿದ ತರುವಾಯದಲ್ಲಿ ಸಾಮಾಜಿಕ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡರು. ತಮ್ಮಲ್ಲಿ ಕರಗತವಾಗಿದ್ದ ಕೆಲವು ವಿಚಾರಗಳಿಂದ ದಲಿತರ ಹಕ್ಕು ಹಾಗೂ ಸವಲತ್ತುಗಳಿಗಾಗಿ ಹೋರಾಟ ನಡೆಸಲು ಮುಂದಾದರು. ದಲಿತರ ಮೇಲೆ ನಡೆಯುವ ಶೋಷಣೆ ಹಾಗೂ ಹಲ್ಲೆಗಳನ್ನು ಖಂಡಿಸುವತ್ತ ತನ್ನ ಹೋರಾಟವನ್ನು ಮುಂದುವರೆಸಿದರು. 1987ರಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಗೆ ಸ್ಪರ್ಧಿಸಿ ಜಯಶೀಲರಾದ ನಂತರದಲ್ಲಿ ಇಲ್ಲಿನ ಪಂಚಾಯಿತಿಯಲ್ಲಿ ಉನ್ನತ ವರ್ಗದವರು ತಮಗೆ ಬೇಕಾದಂತೆ ಸಿಬ್ಬಂದಿಗಳನ್ನು ನೇಮಿಸಿಕೊಂಡಿರುವುದನ್ನು ಖಂಡಿಸಿ ಸಂವಿಧಾನ ಬದ್ಧವಾಗಿ ಮೀಸಲಾತಿಯನ್ನು ಪಾಲಿಸಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಐದು ಜನ ಸಿಬ್ಬಂದಿಯನ್ನು ಇಲ್ಲಿ ನೌಕರರಾಗಿ ನೇಮಿಸಿದರು. ಆ ಐದು ಜನರಿಂದು ಸರ್ಕಾರದ ಖಾಯಂ ನೌಕರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಹೀಗೆ ದಲಿತರ ಪ್ರಗತಿಗಾಗಿ ಸಂವಿಧಾನದ ಆಶಯಗಳನ್ನು ಜಾರಿಗೆ ತರುವತ್ತ ತಮ್ಮ ಹೋರಾಟವನ್ನು ಮುಂದುವರೆಸಿದ ಇವರು ತಮ್ಮ ಗ್ರಾಮದ ಮಾಜಿ ಶಾಸಕರಾದ ಕುಂದೂರು ರುದ್ರಪ್ಪ ಹಾಗೂ ಅವರ ಮಗನನ್ನು ಎದುರು ಹಾಕಿಕೊಳ್ಳಬೇಕಾಯಿತು.

ರಾಜಕಿಯ ಪ್ರವೇಶಿಸಿದ ತರುವಾಯದಲ್ಲಿ ಮಾಜಿ ಶಾಸಕನ ಪುತ್ರನು ಗ್ರಾಮ ಪಂಚಾಯಿತಿಯ ಪ್ರಧಾನ (ಇಂದಿನ ಅಧ್ಯಕ್ಷ ಸ್ಥಾನ) ನಾಗಿದ್ದುಕೊಂಡು ನಡೆಸುತ್ತಾ ಬಂದಿರುವ ಅವ್ಯವಹಾರಗಳನ್ನು ಬಯಲಿಗೆಹಾಕುವತ್ತ ತಮ್ಮ ಹೋರಾಟವನ್ನು ಮುಂದುವರೆಸಿದರು. ತಿಪ್ಪಣ್ಣನವರು 1987ರಲ್ಲಿ ಗ್ರಾಮ ಪಂಚಾಯಿತಿಯ ಸದಸ್ಯರಾದ ಸಂದರ್ಭದಲ್ಲಿ ಈ ಪಂಚಾಯಿತಿಯ ಪ್ರಧಾನನು ಎಸ್.ಸಿ/ಎಸ್.ಟಿ ಕಾಲೋನಿಯಲ್ಲಿ ರಸ್ತೆ, ಬಾವಿ ದುರಸ್ತಿ ಮಾಡಿಸಿದ್ದೇನೆ ಎಂದು ಹೇಳಿ ಏನು ಕೆಲಸ ಮಾಡದೆ ಬಿಲ್ಲು ಮಾಡಿಸಿಕೊಂಡು ಹಣವನ್ನು ತಿಂದುಹಾಕಿದ್ದ. ಇದನ್ನು ತಿಳಿದ ತಿಪ್ಪಣ್ಣನವರು ಅಂದಿನ ಬಿ.ಡಿ.ಓ ಅಧಿಕಾರಿಗೆ (ಇಂದಿನ ಬಿ.ಓ) ದೂರು ಸಲ್ಲಿಸಿದ್ದರು. ಈ ತಾಲ್ಲೂಕು ಅಧಿಕಾರಿಯು ಪ್ರಧಾನರೊಂದಿಗೆ ಶಾಮೀಲಾಗಿ ವಿಚಾರಣೆಗೆ ಬಂದಾಗ, ಅವನ ವಿರುದ್ಧ ಯಾವುದೇ ಕ್ರಮವನ್ನು ಕೈಗೊಳ್ಳದೆ ಅವರೊಂದಿಗೆ ಸಹಕರಿಸುವಂತೆ ಸಲಹೆ ನೀಡಿದನು. ಇದರಿಂದ ಕೋಪಗೊಂಡ ತಿಪ್ಪಣ್ಣನವರು ಅಂದಿನ ಶಿವಮೊಗ್ಗದ ಜಿಲ್ಲಾ ಪರಿಷತ್ತಿನ ಮುಖ್ಯ ಕಾರ್ಯದರ್ಶಿಯಾಗಿದ್ದ ಭರತ್‍ಲಾಲ್ ಮೀನಾ ಅವರಿಗೆ ದೂರು ನೀಡಿದರು. ಇವರು ಆರ್.ಆರ್ ಕೂಸಗೂರ ಎಂಬ ಉಪ ಕಾರ್ಯದರ್ಶಿಯನ್ನು ಇದರ ವಿಚಾರಣೆಗೆ ನೇಮಿಸಿದರು. ಇವರು ಸಹ ಪ್ರಧಾನರೊಂದಿಗೆ ಭಾಗಿಯಾಗಿ ಅವರಿಗೆ ಸಹಕರಿಸುವಂತೆ ಸಲಹೆ ನೀಡಿದರು. ಇಲ್ಲಿಯೂ ತನಗೆ ನ್ಯಾಯ ಸಿಗದ ಕಾರಣದಿಂದಾಗಿ ಗ್ರಾಮ ಪಂಚಾಯಿತಿಯ ಕಾರ್ಯದರ್ಶಿಯಿಂದ ಜಿಲ್ಲಾ ಪರಿಷತ್ತಿನ ಅಧಿಕಾರಿಗಳನ್ನು ಸೇರಿಸಿ ರಾಜ್ಯಪಾಲರಿಗೆ ದೂರು ನೀಡಿದರು. ರಾಜ್ಯಪಾಲರು ಈ ದೂರನ್ನು ಪರಿಶೀಲಿಸುವಂತೆ ಗ್ರಾಮೀಣಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಹಾಗೂ ಮಂತ್ರಿಗಳಿಗೆ ಪತ್ರವನ್ನು ರವಾನಿಸಿದರು. ಆಗ ಗ್ರಾಮೀಣಾಭಿವೃದ್ಧಿ ಮಂತ್ರಿಯಾಗಿದ್ದ ಬಿ. ಬಸವಲಿಂಗಪ್ಪನವರನ್ನು ಇವರು ಭೇಟಿಯಾಗಿ ವಾಸ್ತವವನ್ನು ವಿವರಿಸಿದಾಗ ಇವರಿಗೆ ಮಂತ್ರಿಗಳು ಕೆಲವು ದಿನಗಳ ಕಾಲ ತಮ್ಮ ಮನೆಯಲ್ಲಿ ಆಶ್ರಯ ನೀಡಿ, ನಂತರದಲ್ಲಿ ಈ ಕೇಸನ್ನು ಪರಿಶೀಲಿಸಿ ಕ್ರಮವನ್ನು ಕೈಗೊಳ್ಳವಂತೆ ಎಸ್.ಎಲ್. ಗಂಗಾಧರಪ್ಪ ಎಂಬ ಡಿವಿಜನ್ ಕಮೀಷನರನ್ನು ನೇಮಿಸಿ, ಇವರಿಗೆ ರಕ್ಷಣೆ ನೀಡುವಂತೆ ತಿಳಿಸಿ ಕಳುಹಿಸಿದರು. ಕತ್ತಲಗೆರೆ ಗ್ರಾಮಕ್ಕೆ ಬಂದು ಎಲ್ಲ ಅಧಿಕಾರಿಗಳ ಸಮ್ಮುಖದಲ್ಲಿ ಕಾಮಗಾರಿಯನ್ನು ಪರಿಶೀಲಿಸಿದ ಡಿವಿಜನ್ ಕಮೀಷನರು ಇಲ್ಲಿನ ಅವ್ಯವಹಾರಕ್ಕೆ ಸಹಕರಿಸಿದ ಇಂಜಿನಿಯರ್ ಹಾಗೂ ಕಾರ್ಯದರ್ಶಿಯನ್ನು ಅಮಾನತುಗೊಳಿಸಿದರು.

ಹೀಗೆ ತಮ್ಮ ಹೋರಾಟವನ್ನು ಮುಂದುವರೆಸಿದ ತಿಪ್ಪಣ್ಣನವರು ದಲಿತರಿಗೆ ಆಗುತ್ತಿರುವಂತಹ ಅನ್ಯಾಯಗಳನ್ನು ಶೋಧಿಸತೊಡಗಿದರು. ಈ ಗ್ರಾಮದ ಮಾಜಿ ಶಾಸಕರಾದ ಕುಂದೂರು ರುದ್ರಪ್ಪನವರು ದಲಿತ ವರ್ಗದ ಮಾದಿಗ ಜನಾಂಗಕ್ಕೆ ಸರ್ಕಾರವು ನೀಡಿದ 25 ಎಕರೆ ಉಂಬಳಿ ಭೂಮಿಯನ್ನು ಆಕ್ರಮಣ ಮಾಡಿಕೊಂಡು ತನ್ನ ಸ್ವಾಧೀನಕ್ಕೆ ವಶಪಡಿಸಿಕೊಂಡಿದ್ದ. ಇದನ್ನು ತಿಳಿದ ತಿಪ್ಪಣ್ಣನವರು ಈ ಭೂಮಿಯನ್ನು ಅನುಭವಿಸುತ್ತಿದ್ದ ಮಾಜಿ ಶಾಸಕನ ಮಗನ ವಿರುದ್ಧ ಮಾದಿಗ ಜನಾಂಗಕ್ಕೆ ಅರಿವು ಮೂಡಿಸಿ ಕೇಸು ದಾಖಲಿಸಿದರು. ಈ ಕೇಸನ್ನು ಅಂದಿನ ಜಿಲ್ಲಾಧಿಕಾರಿಯಾದ ನಾರಾಯಣ ಸ್ವಾಮಿ ಎಂಬುವವರು ತಮ್ಮ ನ್ಯಾಯಾಲಯದ ಸಮ್ಮುಖದಲ್ಲಿ ಬಗೆಹರಿಸುವುದಾಗಿ ಕೆಲವು ದಿನಗಳ ಕಾಲ ವ್ಯಾಜ್ಯೆಯನ್ನು ಮುಂದುವರೆಸಿ, ಈ ಕೇಸಿನ ವಿಚಾರದಲ್ಲಿ ಪಾರದರ್ಶಕತೆಯನ್ನು ಮೆರೆಯದೆ ಕಾನೂನಿನ ವಿರುದ್ಧವಾಗಿ ಮಾಜಿ ಶಾಸಕನ ಕಡೆಯವರಿಗೆ ಈ ಭೂಮಿ ಸೇರಿದ್ದು ಎಂದು ತೀರ್ಪು ನೀಡಿದರು. ಇಲ್ಲಿನ ಮತ್ತೊಂದು ದುರಂತವೆಂದರೆ ಅಂದು ಜಿಲ್ಲಾಧಿಕಾರಿಯಾಗಿದ್ದ ನಾರಾಯಣ ಸ್ವಾಮಿಯವರು ಮಾದಿಗ ಜನಾಂಗದವರೆ ಆಗಿದ್ದರು. ಆದರೆ ಇಲ್ಲಿ ದಲಿತರೆ ದಲಿತರ ಹಕ್ಕುಗಳನ್ನು ಕಿತ್ತುತಿನ್ನುವಂತಹ ಪರಿಸ್ಥಿತಿಯು ನಿರ್ಮಾಣವಾಗಿತ್ತು. ಇದರಿಂದಾಗಿ ತಿಪ್ಪಣ್ಣನವರ ಹೋರಾಟಕ್ಕೆ ಬಹು ದೊಡ್ಡದಾದ ಪೆಟ್ಟುಬಿದ್ದಿತು. ಹಣ, ಅಧಿಕಾರದ ಎದುರು ತಿಪ್ಪಣ್ಣನವರ ಹೋರಾಟಕ್ಕೆ ತಕ್ಕ ಪ್ರತಿಫಲ ದೊರೆಯದಾಯಿತು. ಈ ವೇಳೆಗಾಗಲೇ ತಿಪ್ಪಣ್ಣನವರು ಮಾಜಿ ಶಾಸಕನ ಕುಟುಂಬವು ನಡೆಸುತ್ತಿರುವ ಹಲವಾರು ಅಕ್ರಮಣಗಳನ್ನು ಬಯಲಿಗೆ ಹಾಕಿ, ಕೆಲವೊಮ್ಮೆ ಅವರಿಂದ ಹಲ್ಲೆಗೂ ಒಳಗಾಗಿದ್ದರು. ಆದರೆ ಈ ಜಮೀನಿನ ಕೇಸು ಅವರ ಪರವಾಗಿದ್ದರಿಂದಾಗಿ ಅವರಿಗೆ ಮತ್ತಷ್ಟು ಬಲಬಂದಂತಾಗಿ ಇವರ ಮನೆಯ ಮೇಲೆ ಬಹು ಸಂಖ್ಯೆಯಲ್ಲಿ ಜನರನ್ನು ಕೂಡಿಸಿ ಹಲ್ಲೆ ನಡೆಸಿದರು. ಈ ಹಲ್ಲೆಯಲ್ಲಿ ಕೆಲವು ಕಿಡಿಗೇಡಿಗಳು ಇವರ ಮನೆಯ ಹಂಚುಗಳೆಲ್ಲ ಹೊಡೆಯುವ ಹಾಗೆ ಕಲ್ಲು ತೂರಾಟ ನಡೆಸಿ, ತಿಪ್ಪಣ್ಣನವರಿಗೆ ಹಿಂದಿನಿಂದ ತಲೆಗೆ ಹೊಡೆದು ಕೆಡವಿದರು. ಈ ಸಮಯದಲ್ಲಿ ತುಂಬು ಗರ್ಭಿಣ ಯಾದ ಇವರ ಹೆಂಡತಿಯನ್ನು ಕಿಡಿಗೇಡಿಗಳು ಸಮೀಪದಲ್ಲೆ ಇದ್ದ ಚರಂಡಿಗೆ ತಳ್ಳಿದ ಪರಿಣಾಮವಾಗಿ ಇವರ ಹೊಟ್ಟೆಗೆ ಬಲವಾದ ಪೆಟ್ಟುಬಿದ್ದು, ಹೊಟ್ಟೆಯಲ್ಲಿದ್ದ ಶಿಶುವು ಮರಣ ಹೊಂದಿ, ಮುಂದೆ ಮಕ್ಕಳಾಗುವ ಅವಕಾಶ ಕಳೆದುಕೊಂಡರು. ಈ ಹಲ್ಲೆಯಿಂದಾಗಿ ಇವರ ಬದುಕಿಗೆ ಬಲವಾದ ಪೆಟ್ಟುಬಿದ್ದಿತು. ಇದರ ತರುವಾಯ ತಮ್ಮ ಸ್ವಗ್ರಾಮವನ್ನು ಬಿಟ್ಟುಬಂದು ಪ್ರಾಣ ರಕ್ಷಣೆಗಾಗಿ ದಾವಣಗೆರೆಯಲ್ಲಿಯೇ ಇಂದಿಗೂ ತಮ್ಮ ಜೀವನವನ್ನು ಸಾಗಿಸುತ್ತಿದ್ದಾರೆ.

ಶ್ರೀಯುತ ತಿಪ್ಪಣ್ಣನವರು ಇಷ್ಟೆಲ್ಲ ಹಲ್ಲೆಗೆ ಗುರಿಯಾಗಿ ಶೋಷಣೆಗೆ ಒಳಗಾದರು ತಮ್ಮ ಹೋರಾಟವನ್ನು ನಿಲ್ಲಿಸಿಲ್ಲ. ಇವರು ದಾವಣಗೆರೆಯಲ್ಲಿ ವಾಸ್ತವ್ಯವನ್ನು ಹೊಡಿದ್ದರೂ 1987 ರಿಂದ ಪ್ರಸ್ತುತದವರೆಗೂ ಗ್ರಾಮ ಪಂಚಾಯಿತಿಯ ಸದಸ್ಯರಾಗಿ ನಿರಂತರವಾಗಿ ಆಯ್ಕೆಯಾಗುತ್ತಿದ್ದಾರೆ. ದಲಿತರ ಪರವಾದ ಇವರ ನಿಸ್ವಾರ್ಥ ಹೋರಾಟದ ಫಲವಾಗಿ ಇವರನ್ನು ಆ ಗ್ರಾಮದ ಜನತೆಯು ಪ್ರತಿ ಚುನಾವಣೆಯಲ್ಲಿ ಆಯ್ಕೆ ಮಾಡುತ್ತಿದ್ದಾರೆ. ತನ್ನ ಗ್ರಾಮದ ದಲಿತರು ಹಾಗೂ ಹಿಂದುಳಿದ ಜನತೆಗೆ ಸರ್ಕಾರದಿಂದ ಸಿಗುವ ಸವಲತ್ತುಗಳನ್ನು ತಲುಪಿಸುವುದರ ಜೊತೆಗೆ, ಅವರಲ್ಲಿ ಜಾಗೃತಿಯನ್ನು ಮೂಡಿಸುವತ್ತ ತಮ್ಮ ಹೋರಾಟವನ್ನು ಮುಂದುವರೆಸುತ್ತಿದ್ದಾರೆ. ಇವರು ಔಪಚಾರಿಕವಾಗಿ ಓದಿದ್ದು ಕೇವಲ ಎಂಟನೇ ತರಗತಿಯಾದರೂ ಇವರಲ್ಲಿನ ಜ್ಞಾನದ ದಾಹದಿಂದಾಗಿ ಸಾಕಷ್ಟು ವೈಚಾರಿಕ ಕೃತಿಗಳನ್ನು ಓದಿ ಹಾಗೂ ಹಲವಾರು ಚಿಂತಕರ ವಿಚಾರಧಾರೆಗಳಿಂದ ಪ್ರಭಾವಿತರಾಗಿ ಪ್ರಗತಿಯ ಹಾದಿಯಲ್ಲಿ ನಡೆದುಕೊಂಡು ಬಂದಿದ್ದಾರೆ. ಬಿ. ಆರ್. ಅಂಬೇಡ್ಕರರ ವಿಚಾರಗಳನ್ನು ಹಾಗೂ ಅವರು ನೀಡಿದ ಸಂವಿಧಾನದ ಆಶಯದಂತೆ ನಡೆದುಕೊಂಡು ದಲಿತರ ಪ್ರಗತಿಗಾಗಿ ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಇವರು ತಮ್ಮ ಸ್ವಗ್ರಾಮದಲ್ಲಿ ದಲಿತರಿಗಾಗಿ ‘ಅಂಬೇಡ್ಕರ್ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡಗಳ ಸಮುದಾಯ ಭವನ’ವನ್ನು ನಿರ್ಮಿಸಿದ್ದಾರೆ. ಇಲ್ಲಿ ದಲಿತರಿಗೆ ಮಾತ್ರ ಉಚಿತವಾಗಿ ಅವಕಾಶವನ್ನು ಕಲ್ಪಿಸಲಾಗುತ್ತದೆ. ಉಳಿದಂತೆ ಇತರೆ ವರ್ಗದವರಿಂದ ಮಾತ್ರ ಹಣವನ್ನು ಪಡೆಯಲಾಗುತ್ತದೆ. ಈ ಹಣದಿಂದ ದಲಿತರ ಪ್ರಗತಿಗೆ ಪೂರಕವಾದ ಯೋಜನೆಗಳನ್ನು ರೂಪಿಸಲಾಗುತ್ತಿದೆ. ಹಾಗೆಯೇ ಅಂಬೇಡ್ಕರ್ ಎಸ್.ಸಿ/ ಎಸ್.ಟಿ ಸಹಕಾರ ಸಂಘವನ್ನು ಹೋಬಳಿ ಮಟ್ಟದಲ್ಲಿ ಸ್ಥಾಪಿಸಿಕೊಂಡು ದಲಿತರ ಪ್ರಗತಿಗಾಗಿ ಶ್ರಮಿಸುತ್ತಿದ್ದಾರೆ.

ತಿಪ್ಪಣ್ಣನವರು ಹಲವಾರು ವಿಚಾರವಾದಿಗಳಿಂದ ಪ್ರೇರಣೆ ಮತ್ತು ಪ್ರಭಾವಕ್ಕೆ ಒಳಗಾಗಿ ತಮ್ಮ ಹೋರಾಟವನ್ನು ಮುನ್ನಡೆಸಿಕೊಂಡು ಬಂದವರಾಗಿದ್ದಾರೆ. ಇವರ ವಿಚಾರಗಳಿಗೆ ಪ್ರಮುಖವಾಗಿ ಪ್ರೇರಕ ಶಕ್ತಿಯಾಗಿದ್ದವರಲ್ಲಿ ದಲಿತ ಹೋರಾಟಗಾರ ಹಾಗೂ ಅಂಬೇಡ್ಕರ್ ಅನುಯಾಯಿಗಳಾದ ಬಿ. ಬಸವಲಿಂಗಪ್ಪ ಹಾಗೂ ಎಲ್.ಜಿ ಹಾವನೂರರು. ಬಿ. ಬಸವಲಿಂಗಪ್ಪ ಅವರೊಂದಿಗೆ ತುಂಬ ಹತ್ತಿರದ ಒಡನಾಟವನ್ನು ಹೊಂದಿದ್ದ ಇವರು, ಅವರಿಂದ ತುಂಬ ಮೆಚ್ಚುಗೆಯನ್ನು ಗಳಿಸಿದ್ದರು. ಬಸವಲಿಂಗಪ್ಪನವರ ತಾಯಿಯ ಊರು ಕತ್ತಲಗೆರೆಯಾದ ಕಾರಣ ಇವರ ಮಧ್ಯೆ ಉತ್ತಮವಾದ ಸಂಬಂಧವು ಬೆಳೆದಿತ್ತು. ಇದಕ್ಕೆ ಪ್ರಮುಖ ಕಾರಣವೆಂದರೆ ತಿಪ್ಪಣನವರ ಹೋರಾಟದ ನೆಲೆಗಳು ನಿಸ್ವಾರ್ಥದಿಂದ ಕೂಡಿದ್ದು, ದಲಿತರ ಪರವಾಗಿದ್ದವು. ಬಸವಲಿಂಗಪ್ಪನವರ ಆಶಯಗಳು ಇದೇ ನೆಲೆಯಲ್ಲಿದ್ದ ಕಾರಣದಿಂದಾಗಿ ಇವರನ್ನು ಮತ್ತಷ್ಟು ಹತ್ತಿರಕ್ಕೆ ಕರೆತಂದಿತ್ತು. ಬಸವಲಿಂಗಪ್ಪನವರ ಅಂಬೇಡ್ಕರ್‍ವಾದಿ ಚಿಂತನೆಗಳು ಸಹ ತಿಪ್ಪಣನವರಲ್ಲಿ ಸಾಕಷ್ಟು ಆಸಕ್ತಿಯನ್ನು ಕೆರಳಿಸಿದ್ದವು. ಈ ಕಾರಣದಿಂದಾಗಿ ಇವರಿಬ್ಬರ ನಡುವೆ ಉತ್ತಮ ಒಡನಾಟವಿತ್ತು. ಹಾಗೆಯೇ ಬಸವಲಿಂಗಪ್ಪನವರು ಸರಳವಾದ ವ್ಯಕ್ತಿತ್ವವನ್ನು ಹೊಂದಿದ್ದು, ದಲಿತರ ಬಗ್ಗೆ ವಿಶೇಷ ಕಾಳಜಿಯನ್ನು ಹೊಂದಿದ್ದರು. ಇವರಿಬ್ಬರು ಏಕಾಂತದಲ್ಲಿದ್ದ ಸಮಯದಲ್ಲಿ ಬಸವಲಿಂಗಪ್ಪ ಕೆಲವು ಮಾತುಗಳನ್ನು ಹೇಳುತ್ತಿದ್ದರು. “ಮನುಷ್ಯ ಹುಟ್ಟಿದಾನೆ, ಒಂದಿನ ಸಾಯ್ತನ್ಲೆ. ಸಾಯೋದಂತು ಖಚಿತ. ಆದರೆ ಕೈಲಾದಷ್ಟು ನಾವು ಅಂಬೇಡ್ಕರರ ವಿಚಾರ ಇಟ್ಕೋಂಡು ಸಹಾಯ ಮಾಡಿ ಸಾಯ್ಬೇಕು.” ಹಾಗೆಯೇ “ದುಡ್ಡು ಮಾಡೋದೊಂದೆ ಅಲ್ಲ, ನಮ್ಮವರು ಕೆಳಮಟ್ಟದಲ್ಲಿದ್ದಾರೆ. ತಿಳುವಳಿಕೆ ಇಲ್ಲ, ಅವರಿಗೆ ಜಾಗೃತಿ ಮೂಡಿಸ್ಬೇಕು” ಎಂದು ಹೇಳುತ್ತಿದ್ದರು. ಬಸವಲಿಂಗಪ್ಪನವರ ಈ ಎಲ್ಲ ಮಾತುಗಳು ತಿಪ್ಪಣ್ಣನವರಲ್ಲಿ ಹೊಸ ಸಂಚಲನವೊಂದನ್ನು ಮೂಡಿಸುತ್ತಿದ್ದವು. ಇವರ ಹೊರಾಟದ ಹಾದಿಯಲ್ಲಿಯೇ ನಡೆಯುವ ಪ್ರಯತ್ನವನ್ನು ರೂಡಿಸಿಕೊಂಡು ಮುನ್ನಡೆದರು.

ಹಾಗೆಯೇ ಇವರು ವಿಚಾರವಾದಿಗಳು ಹಾಗೂ ಕಾನೂನು ತಜ್ಞರಾದ ಎಲ್.ಜಿ ಹಾವನೂರರೊಂದಿಗೆ ಉತ್ತಮವಾದ ಒಡನಾಟವನ್ನು ಹೊಂದಿದ್ದರು. ಹಾವನೂರರು ತಮ್ಮ ಸ್ವಂತ ಊರಾದ ರಾಣೆಬೆನ್ನೂರಿಗೆ ದಾವಣಗೆರೆ ಮಾರ್ಗದಲ್ಲಿ ಹೋಗುವ ಸಮಯದಲ್ಲಿ ತಿಪ್ಪಣ್ಣನವರನ್ನು ಭೇಟಿಮಾಡಿ, ಇವರೊಂದಿಗೆ ಮಾತುಕತೆ ನಡೆಸಿ ಹೋಗುತ್ತಿದ್ದರು. ತಿಪ್ಪಣ್ಣನವರು ಓದಿದ್ದು ಕಡಿಮೆಯಾದರೂ ಇಂತಹ ಮಹಾನ್ ವಿಚಾರವಾದಿಗಳ ಸಂಘವನ್ನು ಬೆಳೆಸಿಕೊಳ್ಳುವ ಮೂಲಕವಾಗಿ ಸಾಕಷ್ಟು ವೈಚಾರಿಕ ಜ್ಞಾನವನ್ನು ಪಡೆದುಕೊಂಡಿದ್ದಾರೆ. ತಿಪ್ಪಣ್ಣನವರು ವಿಚಾರಗಳನ್ನು ತಿಳಿದುಕೊಳ್ಳುವ ಹಂಬಲದಿಂದಾಗಿ ಇಂತಹ ಹಲವಾರು ವಿಚಾರವಾದಿಗಳ ಸಂಘವನ್ನು ಬೆಳೆಸಿಕೊಂಡು ಬಂದಿದ್ದಾರೆ. ಸಮಕಾಲಿನ ಸಂದರ್ಭದಲ್ಲಿ ದಲಿತರ ಪ್ರಗತಿ ಹಾಗೂ ಅವರಲ್ಲಿ ಜಾಗೃತಿಯನ್ನು ಮೂಡಿಸುವ ಹಂಬಲದಿಂದ ದಲಿತ ಚಿಂತಕರು ಹಾಗೂ ಪ್ರಗತಿಪರ ವಿಚಾರವಾದಿಗಳಾದ ದೇವನೂರು ಮಹಾದೇವ, ಸಿದ್ಧಲಿಂಗಯ್ಯ, ಜಿ.ಟಿ.ಗೋವಿಂದಪ್ಪ, ಸಿ.ಕೆ.ಮಹೇಶ್ ಅವರಂತಹ ಚಿಂತಕರೊಂದಿಗೆ ಉತ್ತಮ ಒಡನಾಟವನ್ನು ಬೆಳೆಸಿಕೊಂಡು ದಲಿತರ ಪ್ರಗತಿಯತ್ತ ಮುನ್ನೆಡೆಯುತ್ತಿದ್ದಾರೆ.
ಬಾಬಾಸಾಹೇಬ್ ಅಂಬೇಡ್ಕರ್ ವಿಚಾರಧಾರೆಗಳಿಂದ ಪ್ರಭಾವಿತರಾದ ತಿಪ್ಪಣ್ಣನವರು ದಿನಾಂಕ 14 ಅಕ್ಟೋಬರ್ 2003ರಂದು ‘ಬೌದ್ಧಧಮ್ಮ ದೀಕ್ಷಾ ಸಮಾರಂಭ ಸಿದ್ಧತಾ ಸಮಿತಿ ಧಮ್ಮ ದೀಕ್ಷಾ ಸಮಾರಂಭ’, ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಬೌದ್ಧಧಮ್ಮಕ್ಕೆ ಮತಾಂತರಗೊಂಡಿದ್ದಾರೆ. ಬುದ್ಧನ ವಿಚಾರಗಳನ್ನು ತಮ್ಮ ಬದುಕಲ್ಲಿ ಅಳವಡಿಸಿಕೊಂಡಿರು ಇವರು ದಲಿತ ಸಮೂಹಕ್ಕೆ ಜಾಗೃತಿ ಮೂಡಿಸುವ ಸಲುವಾಗಿ ಹಲವಾರು ಕಾರ್ಯಕ್ರಮಗಳನ್ನು ಸಂಘಟಿಸುವ ಮೂಲಕ ದಲಿತರ ಜಾಗೃತಿಗಾಗಿ ಹೋರಾಟ ನಡೆಸುತ್ತಿದ್ದಾರೆ. ಇಂದು ಕರ್ನಾಟಕದಲ್ಲಿ ದಲಿತ ಸಂಘರ್ಷ ಸಮಿತಿಯ ಅಡಿಯಲ್ಲಿ ಹುಟ್ಟಿಕೊಂಡಿರುವ ಕೆಲವು ಬಣಗಳ ಮುಖಂಡರು ಅಂಬೇಡ್ಕರ್ ಹೆಸರಿನಲ್ಲಿ ನಡೆಸುತ್ತಿರುವ ರೋಲ್ಕಾಲ್ ನೀತಿಯಿಂದ ಬೇಸರಗೊಂಡಿರುವ ಇವರು, ಅಂಬೇಡ್ಕರ್ ತತ್ವ-ಚಿಂತನೆಗಳಿಗೆ ವಿರುದ್ಧವಾಗಿ ನಡೆಸುತ್ತಿರುವ ಬಾಬಾಸಾಹೇಬರ ಜನ್ಮ ದಿನಾಚರಣೆಯ ಈ ಕ್ರಮದಿಂದ ದಲಿತರ ಪ್ರಗತಿಗಾಗಲಿ ಹಾಗೂ ಅವರಲ್ಲಿ ಜಾಗೃತಗೊಳಿಸುವುದಕ್ಕಾಲಿ ಯಾವುದೇ ಪ್ರಯೋಜನವಿಲ್ಲ ಎಂಬುದನ್ನರಿತ ಇವರು ಇಂತಹ ಮೂಲಭೂತವಾದಿ ಆಚರಣೆಗಳಿಂದ ದೂರಸರಿದು, ಪ್ರತಿವರ್ಷ ಅಂಬೇಡ್ಕರ್ ಜಯಂತಿಗೆ ಬದಲಾಗಿ ಬೌದ್ಧ ಪೂಣ ್ಮೆಯನ್ನು ಸರಳವಾಗಿ ಆಚರಿಸುತ್ತ ಬಂದಿದ್ದಾರೆ. ಈ ಕಾರ್ಯಕ್ರಮಕ್ಕೆ ಯಾರಿಂದಲೂ ಹಣವನ್ನು ವಸೂಲಿ ಮಾಡದೆ ಇವರು ಒಂದು ಸಾವಿರ ರೂಪಾಯಿ ಹಾಗೂ ಇವರ ಅಪ್ತರು, ಪ್ರಗತಿಪರ ಚಿಂತಕರಾದ ಮಹದೇವಪ್ಪನವರು ಒಂದು ಸಾವಿರ ರೂಪಾಯಿಗಳನ್ನು ಹಾಕಿಕೊಂಡು ಕೇವಲ ಎರಡು ಸಾವಿರ ರೂಪಾಯಿಯಲ್ಲಿ ಸರಳವಾಗಿ ಬೌದ್ಧ ಪೂಣ ್ಮೆ ಸಮಾರಂಭವನ್ನು ಆಯೋಜಿಸುತ್ತ ಬಂದಿದ್ದು, ಸಾಧ್ಯವಾದಷ್ಟು ದಲಿತರಿಗೆ ತಮ್ಮ ಹಕ್ಕುಗಳ ಬಗ್ಗೆ ಅರಿವು ಮೂಡಿಸುತ್ತ ಬಂದಿದ್ದಾರೆ. ಪ್ರಸ್ತುತದಲ್ಲಿ ಬೌದ್ಧಧರ್ಮಕ್ಕೆ ಮತಾಂತರಗೊಳಿಸುವಲ್ಲಿ ಎದುರಾಗುವ ಸಮಸ್ಯೆಗಳನ್ನರಿತ ಇವರು, ತಮ್ಮ ಜನತೆಯನ್ನು ಬೌದ್ಧಧರ್ಮಕ್ಕೆ ಮತಾಂತರಗೊಳಿಸುವುದು ಸುಲಭದ ಮಾತಲ್ಲ. ಆದರೆ ಬುದ್ಧನ ವೈಚಾರಿಕ ಚಿಂತನೆಗಳ ಬಗ್ಗೆ ಅರಿವು ಮೂಡಿಸಿದರೆ ದಲಿತರಲ್ಲಿ ಪ್ರಗತಿಯಾಗಬಹುದು ಎಂಬ ಆಶಯವೊತ್ತ ಇವರು ಬೌದ್ಧ ಪೂಣ ್ಮೆಯಂತಹ ಹಲವಾರು ಕಾರ್ಯಕ್ರಮಗಳ ಮೂಲಕ ದಲಿತರಲ್ಲಿ ಅರಿವು ಮೂಡಿಸಲು ಶ್ರಮಿಸುತ್ತಿದ್ದಾರೆ. ತಿಪ್ಪಣ್ಣನವರು ತಮ್ಮ ವೈಚಾರಿಕ ದೃಷ್ಟಿಕೋನದಿಂದ ಬುದ್ಧನನ್ನು ಅಪ್ಪಿಕೊಂಡಿದ್ದಾರೆ. ಇವರ ಈ ವಿಚಾರಗಳ ಹಿಂದೆ ಬಾಬಾಸಾಹೇಬರ ಪ್ರಭಾವವು ಎದ್ದು ಕಾಣುತ್ತದೆ.

ಅಂಬೇಡ್ಕರ್ ತತ್ವಾದರ್ಶಗಳನ್ನು ಮೈಗೂಡಿಸಿಕೊಂಡ ತಿಪ್ಪಣ್ಣನವರು ಅವರಂತೆಯೇ ದಲಿತರ ಪ್ರಗತಿಗಾಗಿ ತನ್ನ ಕೈಲಾದಷ್ಟು ಪ್ರಾಮಾಣ ಕವಾದ ಹೋರಾಟವನ್ನು ನಡೆಸುತ್ತಿದ್ದಾರೆ. ಇವರು ಸುಮಾರು ಇಪ್ಪತ್ತೈದು ವರ್ಷಗಳಿಂದಲೂ ರಾಜಕೀಯ ಕ್ಷೇತ್ರದಲ್ಲಿ ನಿರಂತರವಾಗಿ ಮುನ್ನಡೆಯುತ್ತ ಬಂದರೂ ಇದರಿಂದ ತನ್ನ ವೈಯಕ್ತಿಕ ಬದುಕಿಗಾಗಿ ಯಾವುದೇ ಆಸ್ತಿಯನ್ನಾಗಲಿ, ಹಣವನ್ನಾಗಲೀ ಮಾಡಿಕೊಂಡಿಲ್ಲ. ಇಂದಿಗೂ ದಾವಣಗೆರೆಯಲ್ಲಿ ಬಾಡಿಗೆ ಮನೆಯೊಂದರಲ್ಲಿ ಈ ದಂಪತಿಗಳು ಜೀವನ ಸಾಗಿಸುತ್ತಿದ್ದಾರೆ. ರಾಜಕೀಯ ಭ್ರಷ್ಟರ ಕೂಪ ಎಂಬುದಾಗಿ ಅರಿತಿದ್ದರೂ ಇದರಿಂದ ಸಾಧ್ಯವಾದಷ್ಟು ದಲಿರು ಹಾಗೂ ಹಿಂದುಳಿದವರ ಪ್ರಗತಿಗಾಗಿ ಕೈಲಾದಷ್ಟು ಸಹಾಯ ಮಾಡುವ ಉದ್ಧೇಶದಿಂದ ರಾಜಕೀಯದಲ್ಲಿ ಮುಂದುವರೆಯುವ ಮೂಲಕ ತನ್ನ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಉನ್ನತ ವರ್ಗದವರೇ ಹೆಚ್ಚಾಗಿರುವ ಮತ್ತು ಆರ್ಥಿಕವಾಗಿ ಪ್ರಬಲವಾಗಿರುವ ಇವರ ಗ್ರಾಮದಲ್ಲಿನ ಚುನಾವಣೆಯೊಂದರಲ್ಲಿ ಒಟ್ಟು ಪಂಚಾಯಿತಿಯ ಹದಿನೈದು ಸೀಟುಗಳಲ್ಲಿ ಇವರು ಹನ್ನೇರಡು ಸೀಟುಗಳನ್ನು ತಮ್ಮ ಪರವಾದವರನ್ನೇ ಜಯಶೀಲರಾಗಿ ಮಾಡಿಕೊಂಡಿರುತ್ತಾರೆ. ಈ ಸಾಧನೆಯು ಇವರ ಹೋರಾಟದಲ್ಲಿನ ಕ್ರಿಯಾಶೀಲತೆಯನ್ನು ಎತ್ತಿಹಿಡಿಯುತ್ತದೆ. ರಾಜಕೀಯದಲ್ಲಿ ಆಳವಾದ ಅನುಭವವುಳ್ಳ ಇವರು ಅಂಬೇಡ್ಕರ್ ಕಾಂಗ್ರೇಸ್ ಪಕ್ಷವನ್ನು ಕುರಿತು ಹೇಳುತ್ತಿದ್ದಂತಹ ‘ಕಾಂಗ್ರೇಸ್ ಉರಿಯುವ ಮನೆ’ ಎಂಬ ತತ್ವವನ್ನು ಸಂಪೂರ್ಣವಾಗಿ ಮನಗಂಡಿದ್ದಾರೆ. ಆದರೆ ಇಂದಿನ ಬಿಜೆಪಿಗೆ ಹೋಲಿಸಿದರೆ ಕಾಂಗ್ರೇಸ್ ಅದರಲ್ಲೆ ಉತ್ತಮವಾದುದು ಎಂಬ ಅನಿವಾರ್ಯತೆಯಿಂದ ಕಾಂಗ್ರೇಸ್ ಪಕ್ಷದಲ್ಲಿ ಮುನ್ನಡೆಯುತ್ತಿದ್ದಾರೆ. ಈ ದೇಶದ ದಲಿತರು ಹಾಗೂ ದಮನಿತರ ಪರವಾಗಿ ಜನ್ಮತಾಳಿದ ಸಮಾಜವಾದಿ ಪಕ್ಷದ ಮಹತ್ವವನ್ನರಿತ ಇವರು, ಮಾಯವತಿ ಮಾಡಿದ ತಪ್ಪಿನಿಂದ ಈ ಪಕ್ಷಕ್ಕಾದ ಅನ್ಯಾಯವನ್ನು ಸಂಪೂರ್ಣವಾಗಿ ಅರಿತ್ತಿದ್ದಾರೆ. ಮಾಯವತಿ ಮಾಡಿದ ತಪ್ಪಿನಿಂದಾಗಿ ದಲಿತರ ಬದುಕಿನ ಮೇಲಾದ ಪ್ರಭಾವವನ್ನು ಸಂಪೂರ್ಣವಾಗಿ ಅರಿತಿದ್ದಾರೆ.

ತಿಪ್ಪಣ್ಣನವರು ಕೇವಲ ರಾಜಕೀಯ ಕ್ಷೇತ್ರಕ್ಕೆ ಮಾತ್ರ ಸೀಮಿತವಾದವರಲ್ಲ. ಹಲವಾರು ಪ್ರಗತಿಪರವಾದ ವಿಚಾರಗಳನ್ನು ಮೈಗೂಡಿಸಿಕೊಂಡು ಅದರಂತೆ ಬಾಳಿ ಬದುಕುತ್ತಿದ್ದಾರೆ. ಇಲ್ಲಿನ ಪುರೋಹಿತಶಾಹಿ ವ್ಯವಸ್ಥೆಯಿಂದ ಇಲ್ಲಿನ ತಳಸಮುದಾಯದ ಜನತೆಯ ಮೇಲಾದ ಆಕ್ರಮಣ ಮತು ದಬ್ಬಾಳಿಕೆಗಳನ್ನು ಸಂಪೂರ್ಣವಾಗಿ ಮನಗಂಡಿರುವ ಇವರು ಜಾತಿಗೊಂದು ಮಠಗಳನ್ನು ನಿರ್ಮಿಸುತ್ತಿರುವ ಚಿತ್ರದುರ್ಗದ ಮುರುಘ ಶರಣರ ಈ ಕ್ರಮದ ವಿರುದ್ಧ ಹೋರಾಟ ನಡೆಸಿದ್ದಾರೆ. ಹಾಗೆಯೇ ಈ ನಾಡಿನ ಮೂಲ ನಿವಾಸಿಯಾಗಿರುವ ಬಲಿಚಕ್ರವರ್ತಿಯನ್ನು ಸಂಹಾರ ಮಾಡಿದ ಸವಿನೆನಪಿಗಾಗಿ ಪುರೋಹಿತಶಾಹಿಯು ಆಚರಿಸುತ್ತಾ ಬಂದಿರುವ ಬಲಿ ಪಾಡ್ಯಮಿಯನ್ನು ನಮ್ಮವರು ಪಟಾಕಿ ಸಿಡಿಸಿ ಸಂಭ್ರಮಿಸುತ್ತಿರುವ ಬಗ್ಗೆ ತೀವ್ರ ವೇದನೆಯನ್ನು ವ್ಯಕ್ತಪಡಿಸುವ ಇವರು, ಅಂದು ಉಪವಾಸ ಇರುವ ಮೂಲಕ ಆ ದಿನವನ್ನು ‘ಕರಾಳದಿನ’ವನ್ನಾಗಿ ಆಚರಿಸುತ್ತಾ ಬಂದಿದ್ದಾರೆ. ಇದೇ ರೀತಿಯಾಗಿ ಪುರೋಹಿತಶಾಹಿಯು ತನ್ನ ಅಸ್ತಿತ್ವಕ್ಕಾಗಿ ದಲಿತರು ಹಾಗೂ ಈ ನಾಡಿನ ದಮನಿತರನ್ನು ಹತ್ತಿಕ್ಕುತ್ತಾ ಬಂದಿರುವ ವಿಚಾರಗಳನ್ನು ಅರಿತುಕೊಂಡು ಅವುಗಳನ್ನು ವಿರೋಧಿಸುವ ನೆಲೆಯಲ್ಲಿ ತಮ್ಮ ಹೋರಾಟವನ್ನು ಮುನ್ನಡೆಸಿಕೊಂಡು ಬಂದಿದ್ದಾರೆ.
ಶ್ರೀಯುತರು ರಾಜ್ಯ ಮಟ್ಟದಲ್ಲಾಗಲಿ, ರಾಷ್ಟ್ರ ಮಟ್ಟದಲ್ಲಾಗಲಿ ಹೋರಾಟ ಮಾಡಿ ಗುರುತಿಸಿಕೊಂಡವರಲ್ಲ. ತಳಮಟ್ಟದ ಗ್ರಾಮೀಣ ಬದುಕಿನಲ್ಲಿಯೇ ಬೆಳೆದುಬಂದು, ತನ್ನ ತಿಳುವಳಿಕೆಯಿಂದಾಗಿ ತನ್ನ ಸಮುದಾಯದ ಜನತೆಯ ಮೇಲೆ ಶತಶತಮಾನಗಳಿಂದ ಆಗುತ್ತಿದ್ದಂತಹ ಅನ್ಯಾಯ ಅಕ್ರಮಗಳ ವಿರುದ್ಧ ಸಮರಸಾರಿ, ಅದರಿಂದ ತೀವ್ರವಾದ ಪಟ್ಟು ತಿಂದವರು. ಇವರ ಕುಟುಂಬದ ಮೇಲೆ ಉನ್ನತ ವರ್ಗದವರು ನಡೆಸಿದ ಹಲ್ಲೆಯಿಂದ ತಮ್ಮ ಹೆಂಡತಿಯ ಗರ್ಭಕ್ಕೆ ಪ್ರಬಲವಾದ ಪೆಟ್ಟುಬಿದ್ದು ತನ್ನ ಮುಂದಿನ ಬದುಕನ್ನು ಬೆಳಗಲು ಬೇಕಾದ ಸಂತಾನವನ್ನೆ ಕಳೆದುಕೊಂಡರು. ಇಷ್ಟಾದರೂ ಇವರು ಎದೆಗುಂದದೆ ತಮ್ಮ ಹೋರಾಟವನ್ನು ಮುನ್ನಡೆಸುತ್ತಾ ಬಂದಿದ್ದಾರೆ. ಇವರ ಹೋರಾಟಕ್ಕೆ ಯಾವುದೇ ಸಂಘಟನೆ ಹಾಗೂ ಚಳುವಳಿಗಳ ಬೆಂಬಲವಿಲ್ಲದೆ ಬಾಬಾಸಾಹೇಬರು ಈ ದೇಶಕ್ಕೆ ನೀಡಿರುವ ಸಂವಿಧಾನವನ್ನೆ ಪ್ರಬಲ ಅಸ್ತ್ರವಾಗಿಟ್ಟುಕೊಂಡು ಅಸಮಾನತೆ, ದೌರ್ಜನ್ಯ ಹಾಗೂ ಆಕ್ರಮಣಕಾರಿ ನೀತಿಯ ವಿರುದ್ದ ಹೋರಾಟ ನಡೆಸುತ್ತಾ ಬಂದಿದ್ದಾರೆ. ನಿಜವಾಗಿಯೂ ಈ ದೇಶದ ಪ್ರಗತಿಯಾಗಬೇಕಾಗಿರುವು ರಾಜಧಾನಿಗಳ ಮಟ್ಟದಲ್ಲಲ್ಲ. ಅದು ಗ್ರಾಮೀಣ ಮಟ್ಟದಲ್ಲಿ. ಈ ದೇಶದ ಪ್ರಗತಿಗಾಗಿ ಹೋರಾಟ ನಡೆಸಿದಂತಹ ಬುದ್ಧ, ಬಸವ, ಫುಲೆ, ವಿವೇಕಾನಂದ, ಅಂಬೇಡ್ಕರ್, ಭಗತ್‍ಸಿಂಗ್ ಅವರಂತಹ ಕ್ರಾಂತಿಕಾರಿ ಹೋರಾಟಗಾರರ ಹೋರಾಟ ಕ್ರಮವು ಎಷ್ಟು ಮುಖ್ಯವೋ ಅಷ್ಟೇ ಮುಖ್ಯವಾಗಿ ಗ್ರಾಮೀಣ ಮಟ್ಟದಲ್ಲಿ ದಲಿತರು ಹಾಗೂ ಹಿಂದುಳಿದವರ ಶ್ರೇಯೋಭಿವೃದ್ಧಿಗಾಗಿ ನಿಸ್ವಾಥ್ವಾಗಿ ಹೋರಾಟ ನಡೆಸುತ್ತಿರುವಂತಹ ಇಂತವರು ಅಷ್ಟೇ ಮುಖ್ಯವಾಗಿದ್ದಾರೆ. ಬಾಬಾಸಾಹೇಬರು ಬೆಂಗಳೂರಿಗೆ ಬಂದ ಸಮಯದಲ್ಲಿ ಅತ್ಯಂತ ನೋವಿನಿಂದ ತಮ್ಮ ಅಳಲನ್ನು ತೋಡಿಕೊಳ್ಳುತ್ತಾರೆ. ಅದೇನೆಂದರೆ, “ನಾನು ನನ್ನ ಹೋರಾಟದಲ್ಲಿ ವಿದ್ಯಾವಂತರಿಗಾಗಿ ಸಾಕಷ್ಟು ಬದಲಾವಣೆಗಳನ್ನು ತಂದಿದ್ದೇನೆ. ಆದರೆ ಅನಕ್ಷರಸ್ಥರಿಗಾಗಿ ಏನು ಮಾಡಲು ಆಗಲಿಲ್ಲ. ಈ ವಿದ್ಯಾವಂತರು ಅವಿದ್ಯಾವಂತರ ಪ್ರಗತಿಗೆ ಶ್ರಮಿಸುತ್ತಾರೆಂದು ನಾನು ಭಾವಿಸಿದ್ದೆ. ಅದು ನೆರವೇರಲಿಲ್ಲ” ಎಂಬುದಾಗಿ ಹೇಳುತ್ತಾರೆ. ಅಂಬೇಡ್ಕರರ ಈ ಕನಸು ನೆರವೇರಬೇಕಾದರೆ ಗ್ರಾಮೀಣ ಮಟ್ಟದಲ್ಲಿ ತಿಪ್ಪಣ್ಣನಂತಹ ನಿಸ್ವಾರ್ಥಿಗಳಿಂದ ಮಾತ್ರ ಸಾಧ್ಯವೇ ಹೊರತು, ಅಂಬೇಡ್ಕರ್ ಜಯಂತಿಯ ದಿನ ಮಾತ್ರ ಅವರ ಭಾವಚಿತ್ರದೆದುರು ಭಾಷಣ ಬಿಗಿದು, ಮರುದಿನ ದಲಿತರಿಗು ನನಗೂ ಯಾವುದೇ ಸಂಬಂಧವಿಲ್ಲ ಎಂಬ ಬಲಿತ ದಲಿತ ಮನಸ್ಥಿತಿಯವರಿಂದಾಗಲಿ, ಅಂಬೇಡ್ಕರ್ ಹೆಸರಿನಲ್ಲಿ ಹಣ ವಸೂಲಿ ಮಾಡಿ ಅವರ ಭಾವಚಿತ್ರವನ್ನು ಮೆರವಣ ಗೆ ಮಾಡುತ್ತಾ ಕುಡಿದು, ಕುಣ ದು ಕುಪ್ಪಳಿಸುವ ಮನಸ್ಥಿತಿಯವರಿಂದಲಾಗಲೀ ಸಾಧ್ಯವಿಲ್ಲ.

ನಿಜವಾಗಿಯೂ ಅಂಬೇಡ್ಕರ್ ಹೋರಾಟ ಸಾರ್ಥಕವಾಗುವು ತಳಸಮುದಾಯದ ನೆಲೆಯಲ್ಲಿ ನಿಂತು ಹೋರಾಟ ಮಾಡುವವರಿಂದ ಮಾತ್ರ. ಇನ್ನು ನಮ್ಮ ಗ್ರಾಮಗಳಲ್ಲಿ ದಲಿತರಲ್ಲಿ ಅಸಮಾನತೆ ನೆಲೆಯೂರಿರುವುದಕ್ಕೆ ಕಾರಣ ಇವರಲ್ಲಿನ ಜಾಗೃತಿಯ ಕೊರತೆಯಾಗಿದೆ. ಕತ್ತಲಗೆರೆ ತಿಪ್ಪಣ್ಣನಂತಹ ಗ್ರಾಮೀಣ ಪ್ರತಿಭೆಗಳು ನಮ್ಮ ರಾಷ್ಟ ಮಟ್ಟದ ಹಾಗೂ ರಾಜ್ಯ ಮಟ್ಟದ ಹೋರಾಟಗಾರರಿಗೆ ಆದರ್ಶನಿಯವಾಗಿದ್ದಾರೆ. ಇಂತವರ ಜೀವನ ಕ್ರಮ ಹಾಗೂ ಅವರ ಹೋರಾಟದ ಮಾದರಿಗಳನ್ನು ಅಳವಡಿಸಿಕೊಂಡು ಮುನ್ನಡೆದರೆ ಅಂಬೇಡ್ಕರ್ ಮತ್ತು ಬಿ. ಕೃಷ್ಣಪ್ಪನವರಂತಹÀ ಹೋರಾಟಗಾರರ ಶ್ರಮ ಸಾರ್ಥಕವಾಗುತ್ತದೆ. ಇದರಿಂದ ಅಂಬೇಡ್ಕರ್ ಎಳೆದುತಂದ ತೇರು ಮುನ್ನುಗ್ಗುತ್ತದೆ, ಕರ್ನಾಟಕದ ದಲಿತರ ಗುಡಿಸಲಿನಲ್ಲಿ ಬಿ. ಕೃಷ್ಣಪ್ಪನವರು ಹಚ್ಚಿದ ಹಣತೆ ಬೆಳಗುತ್ತದೆ ಮಾತ್ರವಲ್ಲ ಬೆಳಕು ನೀಡುತ್ತದೆ. ಇಲ್ಲದೇ ಹೋದರೆ ಅಂಬೇಡ್ಕರ್ ಎಳೆದು ತಂದ ತೇರು ನಿಂತಲೇ ನಿಂದು ಗೆದ್ದಲು ಹಿಡಿಯುತ್ತದೆ. ಬಿ. ಕೃಷ್ಣಪ್ಪನವರು ಹಚ್ಚಿದ ಹಣತೆ ಎಣ್ಣೆ ಇಲ್ಲದೆ ತನ್ನ ಬತ್ತಿಯನ್ನೆಲ್ಲ ತಿಂದು ನಂದಿ ಹೋಗುತ್ತದೆ.

(Author: ಕೆ.ಎ ಓಬಳೇಶ್, ಮೋ: 9538345639)

ಡಾ.ಕೆ.ಎ ಓಬಳೇಶ್ ಅವರು ಕುವೆಂಪು ವಿಶ್ವವಿದ್ಯಾಲಯದಿಂದ ಕನ್ನಡ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಐದು ಚಿನ್ನದ ಪದಕ ಹಾಗೂ ನಾಲ್ಕು ನಗದು ಬಹುಮಾನಗಳೊಂದಿಗೆ ಪಡೆದುಕೊಂಡು, ಚಿನ್ನದ ಹುಡುಗ ಎಂಬ ಕೀರ್ತಿಯನ್ನು ಕುವೆಂಪು ವಿಶ್ವವಿದ್ಯಾಲಯದಿಂದ ಪಡೆದುಕೊಂಡಿರುತ್ತಾರೆ. ಮೂರು ವರ್ಷಗಳ ಕಾಲ ದಾವಣಗೆರೆಯ ವಿವಿಧ ಪದವಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆಯನ್ನು ಸಲ್ಲಿಸಿರುತ್ತಾರೆ. ನಂತರದಲ್ಲಿ ಕನ್ನಡ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿಯನ್ನು ಪಡೆದ ಇವರು, ಇದೇ ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿರುತ್ತಾರೆ. ಸಂಶೋಧನೆ ಹಾಗೂ ಬರವಣಿಗೆಯಲ್ಲಿ ಆಸಕ್ತಿಯುಳ್ಳ ಇವರು ಸುಮಾರು ಮೂರು ವರ್ಷಗಳಿಂದ ವಿವಿಧ ಪತ್ರಕೆಗಳಲ್ಲಿ ತಮ್ಮ ಲೇಖನಗಳನ್ನು ಪ್ರಕಟಿಸುತ್ತ ಬಂದಿರುತ್ತಾರೆ. ಭೀಮವಾದ ಮಾಸ ಪತ್ರಿಕೆಯಲ್ಲಿ ದಲಿತ ಹೋರಾಟ ಕಥನ ಎಂಬ ಅಂಕಣವನ್ನು ಸತತವಾಗಿ ಮೂರು ವರ್ಷಗಳಿಂದ ಮುಂದುವರೆಸಿಕೊಂಡು ಬಂದಿರುತ್ತಾರೆ. ಸಾಹಿತ್ಯ ಕ್ಷೇತ್ರದಲ್ಲಿ ಆಸಕ್ತಿಯುಳ್ಳ ಇವರು 'ಅಸ್ಮಿತೆ ಮತ್ತು ಆತ್ಮವಿಮರ್ಶೆ' ಎಂಬ ಕೃತಿಯನ್ನು ಹಾಗೂ 'ವಿವೇಕಯಾನ' ಎಂಬ ನಾಟಕವನ್ನು ರಚಿಸಿರುತ್ತಾರೆ. ವಿವೇಕಯಾನ ನಾಟಕ ಕೃತಿಯು ನಾಟಕ ಅಕಾಡೆಮಿಯ ಪ್ರಶಸ್ತಿಗೆ ಭಾಜನವಾಗಿರುತ್ತದೆ. ಕಾವ್ಯ ರಚನೆಯಲ್ಲಿಯು ಆಸಕ್ತಿಯನ್ನು ಹೊಂದಿರುವ ಇವರಿಗೆ ೨೦೧೪ರಲ್ಲಿ 'ಸಾಹಿತ್ಯ ಸಿರಿ' ರಾಜ್ಯ ಪ್ರಶಸ್ತಿಯು ಲಭಿಸಿರುತ್ತದೆ. ಇಮೇಲ್: eakantagiri@gmail.com. ಮೊ: 9538345639/ 9591420216 )

ದಿನದ ಸುದ್ದಿ

ತತ್ವಪದಗಳು ಸಾರ್ವಕಾಲಿಕ ಬೆಳಕನಿಧಿ: ಕಾ.ತ.ಚಿಕ್ಕಣ್ಣ

Published

on

ಸುದ್ದಿದಿನ,ಬೆಂಗಳೂರು:ತತ್ವಪದಗಳು ಎಲ್ಲ ಕಾಲಕ್ಕೂ ಸಲ್ಲುವಂತಹ ಬೆಳಕನ್ನು ನೀಡುವ ಸೃಜನಶೀಲ ಸಂರಚನೆಗಳಾಗಿವೆ ಎಂದು ಕರ್ನಾಟಕ ಸರ್ಕಾರದ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಅಧ್ಯಕ್ಷರಾದ ಶ್ರೀ ಕಾ.ತ.ಚಿಕ್ಕಣ್ಣ ಅವರು ಅಭಿಪ್ರಾಯಪಟ್ಟರು.

ಬೆಂಗಳೂರಿನ ಕೆ.ನಾರಾಯಣಪುರದ ಕ್ರಿಸ್ತು ಜಯಂತಿ ಡೀಮ್ಡ್ ವಿಶ್ವವಿದ್ಯಾನಿಲಯದ ಕನ್ನಡ ವಿಭಾಗ ಹಾಗೂ ಕರ್ನಾಟಕ ಸರ್ಕಾರದ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಕನ್ನಡ ತತ್ವಪದ ಸಾಹಿತ್ಯ: ಸಾಂಸ್ಕೃತಿಕ ಅನುಸಂಧಾನ’ ವಿಷಯ ಕುರಿತಾದ ಒಂದು ದಿನದ ರಾಷ್ಟ್ರೀಯ ವಿಚಾರಸಂಕಿರಣದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ ತತ್ವಪದ ಸಾಹಿತ್ಯ ರೂಪುಗೊಂಡಿದ್ದ ಕಾಲವನ್ನು ಕತ್ತಲಯುಗ ಎಂದು ಕರೆದು ವಿಸ್ಮೃತಿಗೆ ತಳ್ಳಲಾಗಿತ್ತು. ಆದರೆ ಆ ಕತ್ತಲೆಯುಗದಲ್ಲಿಯೇ ಜಗತ್ತಿಗೆ ಮಹೋನ್ನತ ಬೆಳಕು ನೀಡುವ ನುಡಿರತ್ನಗಳು ರಚನೆಗೊಂಡಿದ್ದವು. ತತ್ವಪದಕಾರರು ಪರಂಪರೆಯೊಂದಿಗೆ ಸಂವಾದ ನಡೆಸುತ್ತಾ ವರ್ತಮಾನಕ್ಕೆ ಸೂಕ್ತವಾಗಿ ಅನ್ವಯವಾಗುವ ಹಾಗೂ ಭವಿಷ್ಯಕ್ಕೆ ಬೇಕಾದ ಜಾಗೃತಿಯನ್ನು ನೀಡುವ ಮೂಲಕ ಕನ್ನಡ ಸಂಸ್ಕೃತಿಯಲ್ಲಿ ತಮ್ಮದೇ ಆದ ಮೌಲ್ಯಯುತ ಸ್ಥಾನವನ್ನು ಪಡೆದುಕೊಂಡಿವೆ. ಸಮಾಜದಲ್ಲಿರುವ ಜಾತಿಭೇದ, ಲಿಂಗಭೇದ, ವರ್ಣಭೇದ ಮೊದಲಾದ ವಿಷಕಾರಿ ಮನಸ್ಥಿತಿಗೆ ತತ್ವಪದಕಾರರು ತಮ್ಮ ನುಡಿ-ನಡೆಗಳ ಮೂಲಕ ಚಿಕಿತ್ಸೆ ನೀಡುವ ಮೂಲಕ ಬದುಕಿನ ಸತ್ಯ ಮತ್ತು ಸಾರ್ಥಕತೆಯನ್ನು ಸಾಧಿಸಿತೋರಿದ್ದಾರೆ ಎಂದು ತಿಳಿಸಿದರು.

ವಿಶ್ವಾತ್ಮಕವಾದ ಸಂವೇದನೆಯ ತತ್ವಪದ ಸಾಹಿತ್ಯ

ವಿಚಾರಸಂಕಿರಣವನ್ನು ಉದ್ಘಾಟನೆ ಮಾಡಿದ ಕ್ರಿಸ್ತು ಜಯಂತಿ ವಿವಿಯ ಸಂಸೋಧನೆ ಮತ್ತು ಅಭಿವೃದ್ಧಿ ವಿಭಾಗದ ನಿರ್ದೇಶಕರಾದ ಫಾ.ಡಾ.ಮರಿಯಾಲಾಲ್ ಜೋಸೆಫ್ ಅವರು, ಕನ್ನಡದ ತತ್ವಪದಗಳು ಜನಸಾಮಾನ್ಯರ ವೇದಗಳಾಗಿವೆ. ಕನ್ನಡ ಸಾಹಿತ್ಯಕ್ಕೆ ಸಂಗೀತಾತ್ಮಕ ಶಾಸ್ತ್ರೀಯ ಸಂರಚನೆಯ ಜೊತೆಗೆ ವಿಶ್ವಾತ್ಮಕವಾದ ಸಂವೇದನೆಯ ಮೂಲಕ ಮಹತ್ತರವಾದ ಕೊಡುಗೆ ನೀಡಿದ್ದು ತತ್ವಪದ ಸಾಹಿತ್ಯ.

ಮಧ್ಯಯುಗೀನ ಕಾಲದ ಭಕ್ತಿಚಳವಳಿಯ ಭಾಗವಾಗಿ ಮೂಡಿಬಂದ ವಚನ ಸಾಹಿತ್ಯ ಹಾಗೂ ಕೀರ್ತನ ಸಾಹಿತ್ಯಗಳು ಕರ್ನಾಟಕದಲ್ಲಿ ಮೂಡಿಸಿದ ಸಾಂಸ್ಕೃತಿಕ ಚೈತನ್ಯಶೀಲತೆಯನ್ನು ನಂತರದಲ್ಲಿ ಮುಂದುವರೆಸುವ ಮೂಲಕ ಮತ್ತಷ್ಟು ಎತ್ತರಕ್ಕೆ ಕೊಂಡೊಯ್ದದ್ದು ತತ್ವಪದ ಸಾಹಿತ್ಯವಾಗಿದೆ. ಇಂದಿನ ಆವೇಗದ ಆಧುನಿಕ ಜಗತ್ತಿಗೆ ತತ್ವಪದಕಾರರು ನೀಡಿದ ಅರಿವಿನ ಬೆಳಕು ಅತ್ಯಗತ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.

ನಿಜತ್ವ ಬೆಳಗುವ ದಾರಿದೀಪ ತತ್ವಪದಗಳು-ಪದ್ಮಾಲಯ ನಾಗರಾಜ್: ಪ್ರಧಾನಗೋಷ್ಠಿಯ ಅಧ್ಯಕ್ಷತೆ ವಹಿಸಿ ತತ್ವಪದಗಳ ಸಾಂಸ್ಕೃತಿಕ ಮಹತ್ವ ಕುರಿತು ಮಾತನಾಡಿದ ಅಚಲ ಸಾಧಕರಾದ ಪದ್ಮಾಲಯ ನಾಗರಾಜ್ ಅವರು, ಜಗತ್ತಿನಾದ್ಯಂತ ಇಂದು ನಡೆಯುತ್ತಿರುವ ಅಧಿಕಾರ ಹಾಗೂ ವ್ಯಾಪಾರದಾಹೀ ರಾಜಕೀಯ ಲಂಪಟ, ಆರ್ಥಿಕ ಲಂಪಟ ಹಾಗೂ ಸಾಮಾಜಿಕ ಅಸಮಾನ ಸೃಷ್ಟಿಗಳು ಮಾನವಲೋಕವನ್ನು ಭ್ರಮೆ ಮತ್ತು ಅಸತ್ಯದತ್ತ ಕೊಂಡೊಯ್ಯುತ್ತಿವೆ. ಅವೈಜ್ಞಾನಿಕ ಕಲ್ಪನೆಗಳನ್ನು ಹುಟ್ಟುಹಾಕುತ್ತಾ ವಾಸ್ತವಿಕತೆಯಿಂದ ದೂರಮಾಡುತ್ತಿವೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ನಿರಂತರ ಆಗುವಿಕೆಯ ಅನಂತವಿಶ್ವದಲ್ಲಿ ನಾವೊಂದು ಬಿಂದುವೆಂಬ ಸತ್ಯದರ್ಶನ ಮಾಡಿಸುವ ಮೂಲಕ ನಿಜತ್ವವನ್ನು ಬೆಳಗುವ ದಾರದೀಪವಾಗಿವೆ ತತ್ವಪದಗಳು ಎಂದು ತಿಳಿಸಿದರು.

‘ತತ್ವಪದಕಾರ್ತಿಯರ ಲೋಕದೃಷ್ಠಿ’ಯನ್ನು ಕುರಿತು ವಿಚಾರಮಂಡನೆ ಮಾಡಿದ ಡಾ.ಶೋಭಾರಾಣಿ ಎನ್. ಅವರು, ‘ತತ್ವಪದಕಾರ್ತಿಯರು ಸಂಸಾರದ ಸಹಯಾನದೊಂದಿಗೇ ಅಧ್ಯಾತ್ಮಿಕ ಸಾಧನೆಯನ್ನು ಮಾಡಬಹುದೆಂದು ಸಾಧಿಸಿತೋರಿದ್ದಾರೆ. ನಿರ್ಭೀತ ನುಡಿಕಾರರು ತತ್ವಪದಕಾರ್ತಿಯರು. ಮಹಿಳಾ ತತ್ವಪದಕಾರರ ಇನ್ನೂ ಎಷ್ಟೋ ತತ್ವಪದಗಳು ಸಂಗ್ರಹವಾಗಬೇಕಿದೆ’ ಎಂದು ಅಭಿಪ್ರಯಪಟ್ಟರು.

‘ಕನ್ನಡ ತತ್ವಪದಗಳು ಮತ್ತು ಬಹುತ್ವ ಭಾರತ’ ಕುರಿತು ಮಾತನಾಡಿದ ರವಿ ಕಂಬಳಿ ಅವರು, ಬಹುಸಂಸ್ಕೃತಿಗಳಿರುವ ಭಾರತದಲ್ಲಿ ಏಕರೂಪೀತನದ ಯಾಜಮಾನ್ಯ ಹೇರುವ ದೌರ್ಜನ್ಯ ಹಾಗೂ ಸಮಸ್ಯೆಗಳಿಗೆ ಪ್ರತಿಕ್ರಿಯೆಯಾಗಿ ಕನ್ನಡ ತತ್ವಪದಕಾರರು ಬಹುತ್ವವನ್ನು ತಮ್ಮ ಸಾಹಿತ್ಯದ ಆಶಯ ಹಾಗೂ ಬದುಕಿನ ಆಚರಣೆಯನ್ನಾಗಿ ಮಾಡಿಕೊಂಡರು. ಮೌಢ್ಯರಹಿತವಾದ ಸಮಸಮಾಜ ಕಲ್ಪನೆ ಅವರದಾಗಿತ್ತು. ತಮಗಿಂತಲೂ ಹಿಂದೆ ಹಲವು ಬಗೆಯ ಬಹುತ್ವದ ಮಾದರಿಗಳನ್ನು ಪ್ರತಿಪಾದಿಸಿದ್ದ ವಚನಕಾರರು ಇವರಿಗೆ ಆದರ್ಶವಾಗಿದ್ದರು ಎಂದು ತಿಳಿಸಿದರು.

ವಿಚಾರಸಂಕಿರಣದ ಭಾಗವಾಗಿ ಹೊರತರಲಾಗಿದ್ದ ‘ಕನ್ನಡ ತತ್ವಪದ ಸಾಹಿತ್ಯ

ಸಾಂಸ್ಕೃತಿಕ ಅನುಸಂಧಾನ-ಸಂಪುಟ 1 ಮತ್ತು 2’ ಕೃತಿಗಳನ್ನು ಲೋಕಾರ್ಪಣೆಗೊಳಿಸಲಾಯಿತು. ಪ್ರಸಿದ್ಧ ಗಾಯಕರಾದ ಶ್ರೀ ಖಾಸೀಂ ಮಲ್ಲಿಗೆ ಮಡುವು ತತ್ವಪದ ಗಾಯನವನ್ನು ಪ್ರಸ್ತುತಪಡಿಸಿದರು. ಪರ್ಯಾಯಗೋಷ್ಠಿಗಳಲ್ಲಿ 6೦ಕ್ಕೂ ಹೆಚ್ಚು ಸಂಶೋಧಕರು ಪ್ರಬಂಧ ಮಂಡನೆ ಮಾಡಿದರು.

ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದ ಮಾನವಿಕ ವಿಭಾಗದ ಡೀನರಾದ ಡಾ.ಗೋಪಕುಮಾರ್ ಎ.ವಿ. ಅವರು ಮುಖ್ಯ ಅತಿಥಿಯಾಗಿದ್ದರು. ಕನ್ನಡ ವಿಭಾಗದ ಮುಖ್ಯಸ್ಥರಾದ ಕ್ಯಾಪ್ಟನ್ ಡಾ.ಸರ್ವೇಶ್ ಬಿ.ಎಸ್. ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ವಿಚಾರಸಂಕಿರಣದ ಸಂಯೋಜಕರಾದ ಡಾ.ಕಿರಣಕುಮಾರ್ ಹೆಚ್.ಜಿ ಅವರು ವಂದಿಸಿದರು.

ಕನ್ನಡ ಪ್ರಾಧ್ಯಾಪಕರಾದ ಡಾ.ಕುಪ್ಪನಹಳ್ಳಿ ಎಂ.ಭೈರಪ್ಪ ಅವರು ನಿರೂಪಿಸಿದರು. ಕನ್ನಡ ಪ್ರಾಧ್ಯಾಪಕರಾದ ಪ್ರೊ.ಚಂದ್ರಶೇಖರ್ ಎನ್., ಡಾ.ಸೈಯದ್ ಮುಯಿನ್, ಡಾ.ರವಿಶಂಕರ್ ಎ.ಕೆ., ತತ್ವಪದಕಾರರ ಅಧ್ಯಯನ ಕೇಂದ್ರದ ಸಿಬ್ಬಂದಿವರ್ಗದವರಾದ ರಜತಾ ಶೆಟ್ಟಿ ಹಾಗೂ ಸುಪ್ರಿಯಾ ಅವರು ಉಪಸ್ಥಿತರಿದ್ದರು. 200ಕ್ಕೂ ಹೆಚ್ಚು ಅಧ್ಯಾಪಕರು, ಸಂಶೋಧಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

ಭೀಮಾ ಕೋರೆಗಾಂವ ; ಮಹರ್ ಸೈನಿಕರ ವೀರಗಾಥೆ

Published

on

~ ಡಾ. ಸುಜಾತಾ ಚಲವಾದಿ

ಭಾರತದ ಇತಿಹಾಸದಲ್ಲಿ ಅನೇಕ ಕ್ರೂರ ವ್ಯಂಗ್ಯಗಳಿವೆ. ಅವುಗಳಲ್ಲಿ ಪೇಶ್ವಾಶಾಹಿ ಆಡಳಿತವು ಒಂದು. ಅವರ ಆಡಳಿತ ಸಂದರ್ಭದಲ್ಲಿ ಅಸ್ಪೃಶ್ಯರು ತಮ್ಮ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಬದುಕುವ ಸ್ಥಿತಿಯಿತ್ತು. ಜಾತಿ ವ್ಯವಸ್ಥೆ ವಿಜೃಂಭಿಸುತ್ತಿದ್ದ ಕಾಲವದು.

ದೌರ್ಜನ್ಯ, ಅನ್ಯಾಯಕ್ಕೆ ಒಳಗಾಗಿ ಸದಾ ನೋವಿನ ಬದುಕು ಅಸ್ಪೃಶ್ಯರದ್ದಾಗಿತ್ತು. ಕಿತ್ತುತಿನ್ನುವ ಬಡತನ, ಹಸಿವು, ದಾರಿದ್ರö್ಯ, ಅಶಿಕ್ಷಿತರಾದ ಅಸ್ಪಶ್ಯರು ಅನ್ಯಾಯದ ವಿರುದ್ಧ ಹೋರಾಟ ಮಾಡುವುದು ಕನಸಿನ ಮಾತಾಗಿತ್ತು. ಇವರ ಬಲಹೀನತೆಯನ್ನು ಬಳಸಿಕೊಂಡು ‘ಪ್ರಾಣಿಗಿಂತ ಕೀಳಾಗಿ’ ನಡೆಸಿಕೊಳ್ಳುತ್ತಿದ್ದ ಪೇಶ್ವಾ ಆಡಳಿತವು ಶೂದ್ರರ, ನಿಮ್ನರ ಮೇಲೆ ತಮ್ಮ ಅಟ್ಟಹಾಸವನ್ನು ಮೆರೆಯುತ್ತಿದ್ದರು.

ಅನ್ಯಾಯಕ್ಕೆ ಒಳಗಾದ ಕೆಳಜಾತಿಯ ಮಹಾರರು, ಮಾಂಗರು, ಚಮ್ಮಾರರು ಮತ್ತು ಮಹಿಳೆಯರು ತತ್ತರಿಸಿ ಹೋಗಿದ್ದರು. ಮಹಾರಾಷ್ಟçದ ಪೇಶ್ವಾಶಾಹಿ ಕಾಲಘಟ್ಟದಲ್ಲಿ ನಡೆದ ಭೀಮಾ ಕೋರೆಗಾಂವ ಚಳವಳಿಯನ್ನು ಬರಹದ ರೂಪದಲ್ಲಿ ಬಾಬಾಸಾಹೇಬ ಅಂಬೇಡ್ಕರ್ ನಮ್ಮ ಮುಂದೆ ಇರಿಸಿದ್ದಾರೆ.
1ನೇ ಜನವರಿ 1818ರಲ್ಲಿ ಅಂದರೆ ಇಂದಿಗೆ 207 ವರ್ಷಗಳ ಹಿಂದೆ 28,000 ಸಾವಿರ ಸಂಖ್ಯೆಯ ಪೇಶ್ವಾಸೈನ್ಯದ ಎದುರು ಐದುನೂರು ಮಹಾರ ಜನಾಂಗದವರು ಹೋರಾಡಿ ವಿಜಯ ಸಾಧಿಸಿದ ದಿನ ಕೋರೆಗಾಂವ್ ಯುದ್ಧ ‘ನ್ಯಾಯದ ಯುದ್ಧ’, ಇಡೀ ಪರಿಶಿಷ್ಟ ಜಾತಿಯವರಿಗೆ ಸ್ವಾಭಿಮಾನದ ಸಂಕೇತವಾಗಿ ಪರಿಣಮಿಸಿದೆ.

ಈ ದಿನವನ್ನು ಯಾವ ಮಹಾರರೂ ಮರೆಯುವ ಹಾಗಿಲ್ಲ. ಬಾಬಾಸಾಹೇಬರು ಈ ದಿನದ ಸ್ಮರಣೆಯನ್ನು “ದಲಿತರ ಪರಾಕ್ರಮ ದಿನ”ವೆಂದು ತಿಳಿದು ಕೋರೆಗಾಂವನಲ್ಲಿ ನಿರ್ಮಿಸಿದ ವಿಜಯಸ್ತಂಭ ಸ್ಮಾರಕಕ್ಕೆ ವಂದಿಸಲು ಪ್ರತೀ ವರ್ಷ ಜನವರಿ 1 ರಂದು ತಪ್ಪದೇ ಹೋಗಿ ಬರುತ್ತಿದ್ದರು. ಜಾತಿಪದ್ಧತಿಯೇ ಪ್ರಧಾನವಾದ ಕಾಲದಲ್ಲಿ ಅಸ್ಪಶ್ಯರ ಸ್ಥಿತಿ ತುಂಬಾ ಹದಗೆಟ್ಟು ಹೋಗಿತ್ತು. ಮೇಲು-ಕೀಳು ಎಂಬ ಭಾವನೆ ಏರುಮುಖದಲ್ಲಿದ್ದ ಕಾಲ.

ಮನುಸ್ಮೃತಿಯನ್ನು ಚಾಚೂ ತಪ್ಪದೇ ಮುನ್ನಡೆಸಿಕೊಂಡು ಬರುವ ಮೇಲ್ವರ್ಗದವರು ಅಸ್ಪೃ್ಪಶ್ಯರನ್ನು ಕಂಡರೆ ಅನೇಕ ಬಗೆಯ ಶಿಕ್ಷೆಗೆ ಒಳಗು ಮಾಡುತ್ತಿದ್ದರು. ಅಸ್ಪೃಶ್ಯರನ್ನು ಕಂಡರೆ ಮೈಲಿಗೆಯಾಗುತ್ತದೆ ಎನ್ನುವ ಮನಸ್ಥಿತಿ ಅವರದ್ದು, ಅಸ್ಪೃಶ್ಯ ರಸ್ತೆಗೆ ಇಳಿಯಕೂಡದು, ಒಳ್ಳೆ ಬಟ್ಟೆ ಹಾಕಿಕೊಳ್ಳುವ ಹಾಗಿಲ್ಲ, ಒಳ್ಳೆಯ ಆಹಾರ ಸೇವನೆಯಂತೂ ಕನಸಿನ ಮಾತಾಗಿತ್ತು. ಊರ ಪ್ರವೇಶಕ್ಕೆ ಸಮಯ ನಿಗದಿ ಮಾಡಿದ್ದರು.

ಸೂರ್ಯೋದಯ, ಸೂರ್ಯಾಸ್ತದ ಸಂದರ್ಭದಲ್ಲಿ ಅಸ್ಪೃಶ್ಯ ವ್ಯಕ್ತಿ ಊರಲ್ಲಿ ಬರುವಂತಿರಲಿಲ್ಲ. ಸೂರ್ಯ ನೆತ್ತಿಯ ಮೇಲಿದ್ದಾಗ ಮಾತ್ರ ಊರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಬೀದಿಯಲ್ಲಿ ಹೋಗಬೇಕಾದರೆ ಕೊರಳಿಗೆ ಮಣ್ಣಿನ ಸಣ್ಣ ಕುಡಿಕೆಯನ್ನು ಹಾಕಿಕೊಂಡು ಹೋಗಬೇಕು, ಉಗುಳುವ ಸಂದರ್ಭ ಬಂದರೆ, ಅದೇ ಕುಡಿಕೆಯಲ್ಲಿಯೇ ಉಗುಳಿಕೊಳ್ಳಬೇಕು. ಕಾರಣ ರಸ್ತೆಯಲ್ಲಿ ಅಸ್ಪೃಶ್ಯರು ಉಗುಳಿದರೆ ಅವನ ಹೇಸಿಗೆಯನ್ನು ಸವರ್ಣೀಯರು ತುಳಿಯಬಾರದು.

ತುಳಿದರೆ ಮೈಲಿಗೆಯಾಗುತ್ತಿತ್ತು. ರಸ್ತೆಯಲ್ಲಿ ನಡೆಯುವಾಗ ಆತನ ನೆರಳು ಅವನ ಕಾಲಲ್ಲಿಯೇ ಉಳಿಯುವ ಹಾಗೇ ಮಧ್ಯಾಹ್ನದ ನೆತ್ತಿ ಸುಡುವ ಬಿಸಿಲಿನಲ್ಲಿ ಮಾತ್ರ ಊರಲ್ಲಿ ಬರಬೇಕು. ನಡೆದುಕೊಂಡು ಹೋಗುವಾಗ ಹೆಜ್ಜೆ ಗುರುತುಗಳು ಕಾಣದಿರಲಿ ಎಂದು ಬೆನ್ನಿಗೆ ಮುಳ್ಳಿನ ಪೊರಕೆಯನ್ನು ಕಟ್ಟಿಕೊಂಡು ಸಾಗಬೇಕಾದ ಸ್ಥಿತಿ ಅವರದಾಗಿತ್ತು. ಹಾಗೇ ಅಸ್ಪೃಶ್ಯನೊಬ್ಬ ಬರುವುದನ್ನು ‘ಸಂಭೋಳಿ ಸಂಭೋಳಿ ಮಾಯ್ ಬಾಪ್ ಹೊಲೆಯ ಬರುತ್ತಿದ್ದೇನೆ’ ಅಂತಾ ಕೂಗಿ ಹೇಳಬೇಕು. ಇಲ್ಲ, ಕೈಯಲ್ಲಿ ಗೆಜ್ಜೆಕಟ್ಟಿದ ಕೋಲನ್ನು ಹಿಡಿದುಕೊಂಡು ನೆಲಕ್ಕೆ ಕುಕ್ಕಿಸಿಕೊಂಡು ಸದ್ದು ಮಾಡುತ್ತ ಹೋಗಬೇಕು.

ಇದಲ್ಲದೆ ಅಸ್ಪೃಶ್ಯ ಊರ ಪ್ರವೇಶ ಮಾಡಿದಾಗ ಯಾರಾದರೂ ಎದುರು ಬಂದರೆ ಸುಡುವ ಬಿಸಿಲಲ್ಲಿ ಓಡಿ ಹೋಗಿ ಭೂಮಿಯನ್ನು ಅಪ್ಪಿಕೊಳ್ಳಬೇಕು. ಸವರ್ಣೀಯರಿಗೆ ಅವನ ನೆರಳೂ ಸ್ಪರ್ಶ ಮಾಡುವಂಗಿರಲಿಲ್ಲ. ಇಂತಹ ಅಮಾನವೀಯ ನಿಯಮಗಳನ್ನು ಹೊರಡಿಸಿದ ಕಾಲಘಟ್ಟವದು. ಇಷ್ಟೆಲ್ಲಾ ನಿಯಮಗಳನ್ನು ಅಸ್ಪಶ್ಯರ ಮೇಲೆ ಹೇರಿದರೂ ಕೂಡಾ ಮಹಾರ್ ಸೈನಿಕರು ತಮ್ಮ ಪ್ರಾಣವನ್ನು ಲೆಕ್ಕಿಸದೆ ಮೊಗಲರ ಬೃಹತ್ ಸೈನ್ಯದ ವಿರುದ್ಧ ಹೋರಾಡಿ ಪೇಶ್ವೆಗಳ ಪರವಾಗಿ ಯುದ್ಧಕ್ಕೆ ಸನ್ನದ್ಧರಾಗಿದ್ದರು. ಮಹಾರ್ ಸೈನಿಕರ ಶೌರ್ಯದಿಂದಲೇ ಪೇಶ್ವೆಗಳ ಆಡಳಿತ ಸುಗಮವಾಗಿ ನಡೆಯುತ್ತಿತ್ತು. ಆದರೆ ಪೇಶ್ವಗಳು ಮತ್ತು ಸವರ್ಣೀಯರು ಮಹಾರ್‌ಸೈನಿಕರನ್ನು ತುಚ್ಛವಾಗಿ ನಡೆಸಿಕೊಳ್ಳುತ್ತಿದ್ದರು.

1758 ರಲ್ಲಿ ಬ್ರಿಟಿಷರು ಈಸ್ಟ್ ಇಂಡಿಯಾ ಕಂಪನಿಯನ್ನು ಸ್ಥಾಪಿಸಿದ ನಂತರ ಮಹಾರ್ ಜನರನ್ನು ಸೈನಿಕರಾಗಿ ನೇಮಕ ಮಾಡಿಕೊಳ್ಳಲು ಪ್ರಾರಂಭಿಸಿದರು. ಭಾರತೀಯ ಮಹಾರ್ ಸೈನಿಕರಿಗೆ ಶಿಕ್ಷಣದ ಅವಕಾಶವನ್ನು ಮಾಡಿಕೊಟ್ಟಿದ್ದರ ಪರಿಣಾಮ ಸ್ವಲ್ಪ ಮಟ್ಟಿಗೆ ತಿಳಿವಳಿಕೆ ಮೂಡಲು ಸಹಾಯವಾಯಿತು. ತಮ್ಮ ಹಕ್ಕು-ಬಾಧ್ಯತೆಗಳನ್ನು ತಿಳಿಯುವಂತಾಯಿತು. ಬ್ರಿಟಿಷರಲ್ಲಿ ಇರದ ಜಾತಿವ್ಯವಸ್ಥೆ ನಮ್ಮ ದೇಶದಲ್ಲಿ ಕಂಡ ಮಹಾರ್ ಸೈನಿಕರು ಬ್ರಿಟಿಷರಿಗೆ ತಮ್ಮ ಬೆಂಬಲವನ್ನು ನೀಡುವಂತಾಯಿತು. ಅವಮಾನ, ಅನ್ಯಾಯ, ದೌರ್ಜನ್ಯಕ್ಕೆ ಒಳಗಾದ ಮಹಾರ್ ಜನಾಂಗದವರು, ಈ ಎಲ್ಲದರಿಂದ ಮುಕ್ತಿ ಕಾಣಲು ಬ್ರಿಟಿಷರ ಪರವಾಗಿ ಯುದ್ಧಗಳಲ್ಲಿ ಹೋರಾಡಲು ಪ್ರಾರಂಭಿಸಿದರು.

ಎರಡನೆಯ ಬಾಜೀರಾವ್ ಪೇಶ್ವೆಯ ರಾಜ್ಯಾಡಳಿತವಿದ್ದ ಸಂದರ್ಭದಲ್ಲಿ 31 ನೇ ಡಿಸೆಂಬರ್ 1817 ರ ರಾತ್ರಿ ಬ್ರಿಟಿಷರ ಸೇನಾಪತಿ ಕ್ಯಾಪ್ಟನ್ ಫ್ರಾನ್ಸಿಸ್ ಸ್ಟಂಡನ್ ಮುಂದಾಳತ್ವದಲ್ಲಿ ಸೇನೆ ಪೇಶ್ವೆಗಳ ಮೇಲೆ ದಾಳಿ ಮಾಡಲು ಸಿದ್ಧಗೊಂಡಿತು. ಇದನ್ನು ತಿಳಿದ ಮಹಾರ್ ಬೆಟಾಲಿಯನ್ನಿನ ನಾಯಕ ಸಿದ್ಧನಾಕ ಮಾರುವೇಷದಲ್ಲಿ ಪೇಶ್ವೆಯನ್ನು ಕಾಣುತ್ತಾನೆ. ಆಗ ಪೇಶ್ವೆ ಮಹಾರ್ ಬೆಟಾಲಿಯನ್ನಿನ ನಾಯಕ ಸಿದ್ಧನಾಕನನ್ನು ಒಳಗೆ ಬಿಟ್ಟವನನ್ನು ಕೊಲ್ಲಿಸುತ್ತಾನೆ. ಇಂಗ್ಲಿಷರು ನಿಮ್ಮ ಮೇಲೆ ಯುದ್ಧ ಮಾಡುವರಿದ್ದಾರೆ, ನೀವು ನಮ್ಮ ಹಕ್ಕುಗಳನ್ನು ನಮಗೆ ನೀಡುವುದಾದರೆ ನಿಮ್ಮ ಪರವಾಗಿ ಅವರ ವಿರುದ್ಧ ನಾವು ಹೋರಾಡುತ್ತೇವೆ ಎನ್ನುತ್ತಾನೆ. “ನಿಮ್ಮ ಹಕ್ಕುಗಳು ಯಾವವು? ನೀನು ಇನ್ನೊಂದು ಘಳಿಗೆ ಇಲ್ಲಿ ನಿಂತರೆ ನಿನ್ನ ಶಿರಚ್ಛೇದನ ಮಾಡುತ್ತೇನೆ” ಎಂದು ಗದರುತ್ತಾನೆ. ಸಿದ್ಧನಾಕ ಮರಳಿ ಬಂದು ಅಲ್ಲಿ ನಡೆದ ಎಲ್ಲ ವಿವರ ಸಂಗಾತಿಗಳಿಗೆ ನೀಡುತ್ತಾನೆ. ಅಂತಿಮವಾಗಿ ಇಂಗ್ಲಿಷರ ಪರವಾಗಿ ಮಹಾರ್ ಬೆಟಾಲಿಯನ್ ಹೋರಾಡಲು ಸಿದ್ಧವಾಗುತ್ತದೆ. ಪೇಶ್ವೆಗಳ ಸೈನ್ಯ ಕೋರೆಗಾಂವ್ ಪ್ರದೇಶದ ಭೀಮಾನದಿಯ ಬಲದಂಡೆಯ ಮೇಲೆ ಯುದ್ಧಕ್ಕೆ ಸಜ್ಜಾಗಿ ಸುತ್ತುವರೆದು ನಿಂತುಕೊಂಡಿತು. ಮಹಾರ್ ರೆಜಿಮೆಂಟ್ ಸೈನ್ಯ ಬ್ರಿಟಿಷರ ಪರವಾಗಿ ಯುದ್ಧಕ್ಕೆ ಸಜ್ಜಾಗಿದ್ದರು.

ಪೇಶ್ವೆಗಳ ಸೇನೆಯು 25,000 ಕುದುರೆ ಸವಾರರು ಮತ್ತು 3,000 ಕ್ಕಿಂತಲೂ ಹೆಚ್ಚು ಸಂಖ್ಯೆಯಲ್ಲಿದ್ದ ಯೋಧರಿಂದ ತುಂಬಿ ತುಳುಕುತ್ತಿತ್ತು. ಎರಡೂ ಸೇನೆಗಳ ನಡುವೆ ಘನಘೋರ ಯುದ್ಧ ಪ್ರಾರಂಭವಾಗುತ್ತದೆ. ಬೃಹತ್ ಸೇನೆಯ ವಿರುದ್ಧ ಬ್ರಿಟಿಷ್ ಸೇನಾಪತಿ ಕ್ಯಾಪ್ಟನ್ ಪ್ರಾನ್ಸಿಸ್ ಸ್ಟಂಡನ್ ತಾನು ಸೋಲುತ್ತೇನೆ ಎಂದುಕೊAಡು ನಿರಾಶೆಯನ್ನು ತಳೆದಿದ್ದ. ಆದರೂ ಎದುರಾಳಿಯ ಜೊತೆ ಯುದ್ಧದಲ್ಲಿ ಮುನ್ನುಗ್ಗುವುದು ಆತನ ವಿಚಾರವಾಗಿತ್ತು. “ಮಹಾರ್ ಸೈನಿಕರು ವೀರಾವೇಶದಿಂದ ಹೋರಾಡಿ ಪೇಶ್ವೆಗಳು ಪಲಾಯನ ಗೈಯ್ಯಲು ಕಾರಣರಾದರು. ಈ ಯುದ್ಧದಲ್ಲಿ ಎರಡನೆಯ ಬಾಜಿರಾವ್ ಪೇಶ್ವೆಯು ಪಲಾಯನ ಮಾಡುವುದರಲ್ಲಿ ಮೊದಲಿಗ”ನೆಂದು ಬಾಬಾಸಾಹೇಬರು ತಮ್ಮ ಬರಹದಲ್ಲಿ ದಾಖಲಿಸಿದ್ದಾರೆ.

ಬೆಳಿಗ್ಗೆ ಆರು ಗಂಟೆಗೆ ಪ್ರಾರಂಭವಾದ ಯುದ್ಧ ರಾತ್ರಿ ಆರು ಗಂಟೆಗೆ ಮುಕ್ತಾಯಗೊಳ್ಳುತ್ತದೆ. ಸಂಖ್ಯೆಯಲ್ಲಿ ಅಲ್ಪವಾಗಿದ್ದರೂ ಅತ್ಯಂತ ಕೆಚ್ಚಿನಿಂದ ಕಲಿತನ ಪ್ರದರ್ಶಿಸಿದ ಮಹಾರ್ ಯೋಧರು, ತಮ್ಮ ಮೇಲೆ ಅಮಾನವೀಯವಾದ ಅಸ್ಪೃಶ್ಯತೆಯನ್ನು ಹೇರಿದ್ದ ಪೇಶ್ವೆ ಆಡಳಿತವನ್ನು ಯುದ್ಧದಲ್ಲಿ ಮಣ್ಣು ಮುಕ್ಕಿಸಿದರು. ಮಹಾರ್ ಸೈನಿಕರ ಅಭೂತಪೂರ್ವ ಕಲಿತನದ ಕಾರಣದಿಂದಲೇ ಬ್ರಿಟಿಷರು ಕೋರೆಗಾಂವ್ ಯುದ್ಧವನ್ನು ಗೆಲ್ಲಲು ಸಾಧ್ಯವಾಯಿತು. ಗೆಲುವಿಗೆ ಕಾರಣರಾದ, ಕದನದಲ್ಲಿ ಹುತಾತ್ಮರಾದ ಯೋಧರನ್ನು ಸದಾಕಾಲ ಸ್ಮರಿಸುವಂತೆ ಕೋರೆಗಾಂವನ ಭೀಮಾನದಿ ತೀರದ ಪ್ರಶಸ್ತವಾದ ಮೈದಾನ, ಕದನದ ಕಿಡಿ ಮೊಟ್ಟ ಮೊದಲು ಹೊತ್ತಿದ ಸ್ಥಳದಲ್ಲಿ ಬ್ರಿಟಿಷರು ಸ್ಮರಣ ಸ್ತಂಭವನ್ನು ಸ್ಥಾಪಿಸಿದರು.

26 ನೆಯ ಮಾರ್ಚ್ 1821 ರಲ್ಲಿ ಈ ಭವ್ಯ ವಿಜಯಸ್ತಂಭಕ್ಕೆ ಅಡಿಗಲ್ಲು ಹಾಕಿದಾಗ ಬಂದೂಕು ಮತ್ತು ತೋಪುಗಳ ಮೂಲಕ ಹುತಾತ್ಮರಿಗೆ ರಾಜಮರ್ಯಾದೆಯ ಶ್ರದ್ಧಾಂಜಲಿ ಸಲ್ಲಿಸಲಾಯಿತು. 63 ಅಡಿ ಎತ್ತರ ಇರುವ ಈ ವಿಜಯಸ್ತಂಭವು 1822 ರಲ್ಲಿ ಪೂರ್ಣವಾಗಿ ನಿರ್ಮಾಣವಾಯಿತು. ಮೊದಲಿಗೆ ಈ ಸ್ತಂಭವನ್ನು ಮಹಾರ್ ಸ್ತಂಭವೆAದು ಕರೆಯಲಾಗುತ್ತಿತ್ತು. ನಂತರದಲ್ಲಿ ವಿಜಯಸ್ತಂಭವೆಂದು ಹೆಸರಿಸಲಾಯಿತು.

ವಿಜಯಸ್ತಂಭದ ಮೇಲೆ 20 ಮಹಾರ್ ಸೈನಿಕರ ಹೆಸರುಗಳನ್ನು ಕೆತ್ತಿಸಲಾಗಿದೆ. ಪ್ರತಿವರ್ಷ ಜನೆವರಿ 1 ರಂದು ಬಾಬಾಸಾಹೇಬರು ಕೋರೆಗಾಂವ್ ವಿಜಯಸ್ತಂಭಕ್ಕೆ ಭೇಟಿ ಕೊಟ್ಟು ನಮನವನ್ನು ಸಲ್ಲಿಸುತ್ತಿದ್ದರು. ಇಂತಹ ಐತಿಹಾಸಿಕ ವಿಜಯದ ಸಂಕೇತವಾದ ಕೋರೆಗಾಂವ ಚಳವಳಿಯನ್ನು ಮತ್ತೆ ಮತ್ತೆ ನೆನೆಯುವುದು ಇಂದಿನ ಅನಿವಾರ್ಯವೂ ಹೌದು. ಏಕೆಂದರೆ ಬಾಬಾಸಾಹೇಬರೇ ಹೇಳಿದ ಹಾಗೆ “ಇತಿಹಾಸವನ್ನು ತಿಳಿಯದವನು ಇತಿಹಾಸವನ್ನು ಸೃಷ್ಟಿಸಲು ಸಾಧ್ಯವಾಗದು” ಎಂದಿದ್ದಲ್ಲದೆ ದಲಿತರಾರೂ ಕುರಿಗಳಲ್ಲ, ಅವರು ಹುಲಿಗಳು’ ಎಂದು ಹೇಳಿರುವುದನ್ನು ಮತ್ತೆ ಮತ್ತೆ ಮನನಿಸಬೇಕಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

ಕುವೆಂಪು ಅವರಿಗೆ ಲಂಕೇಶರ ಎಂಟು ಪ್ರಶ್ನೆಗಳು

Published

on

ಕುವೆಂಪು ಅವರನ್ನು ನಾನು ಅಂದು ನೋಡಿದ್ದು ಎರಡನೆ ಸಲ. ನಾನು ನೋಡಲು ಬಂದಿರುವ ವಿಷಯ ತಿಳಿದು ಕೈಯಲ್ಲಿ ನನ್ನ ಪ್ರಶ್ನೆ ಮತ್ತು ತಮ್ಮ ಉತ್ತರಗಳಿಂದ ಕೂಡಿದ ಟೈಪ್ ಮಾಡಿದ ಹಾಳೆಗಳನ್ನು ಹಿಡಿದುಕೊಂಡು ಬಂದರು. ನಾನು ಮತ್ತು ಮಿತ್ರ ನೆಲಮನೆ ದೇವೇಗೌಡರು ನಮಸ್ಕರಿಸಿದೊಡನೆ ಕೂತು ಪ್ರಶ್ನೆ ಮತ್ತು ಉತ್ತರಗಳನ್ನು ಓದುತ್ತ ವಿವರಿಸತೊಡಗಿದರು.

ತಮಗೆ ಯಾವುದೇ ಜಾತಿಯ ಬಗ್ಗೆ ಒಣ ಅಭಿಮಾನವಾಗಲಿ ಅನಗತ್ಯ ಪೂರ್ವಗ್ರಹವಾಗಲಿ ಇಲ್ಲವೆಂದು ಸ್ಪಷ್ಟಪಡಿಸಿದರು. ಅವರ ಮಾತಿನಲ್ಲಿ ತಮ್ಮ ಉತ್ತರಗಳು ಜನಕ್ಕೆಲ್ಲಿ ತಿಳಿಯುವುದಿಲ್ಲವೋ ಎಂಬ ಆತಂಕವಿದ್ದಂತಿತ್ತು. ಆದ್ದರಿಂದ ತಮ್ಮ ಕೃತಿಗಳಿಂದ ಉದಾಹರಣೆ ಎತ್ತಿಕೊಂಡು ಮಾತಾಡಿದರು. ನಾನು ಅವೆಲ್ಲವನ್ನೂ ಓದಿದ್ದೆನಾದ್ದರಿಂದ ಆ ವಿವರಣೆ ಅನಗತ್ಯವಾಗಿತ್ತು. ಆದರೆ ಕುವೆಂಪು ಅವರಿಗೆ ಅದಮ್ಯ ಉತ್ಸಾಹವಿದೆ; ಈ ಸಮಾಜದ ಕೆಡಕುಗಳ ಬಗ್ಗೆ ಕೋಪವಿದೆ. ತಾವು ಎಷ್ಟೇ ಬರೆದರೂ ಮಾತಾಡಿದರೂ ಈ ಜನತೆ ಸರಿಹೋಗುತ್ತದೋ ಇಲ್ಲವೋ ಎಂಬ ಸಂದೇಹವಿದೆ. ಆದ್ದರಿಂದಲೇ ಹಲವೊಮ್ಮೆ ವ್ಯಗ್ರವಾಗಿ ಮಾತಾಡುತ್ತಾರೆ. ಅವರು ನನ್ನ ಪ್ರಶ್ನೆಗಳಿಗೆ ಉತ್ತರ ಹೇಳುತ್ತ ಹೊಸ ಸಾಹಿತ್ಯದ ಬಗ್ಗೆ ಮಾತಾಡಿರುವುದನ್ನೂ ಈ ಅರ್ಥದಲ್ಲೇ ತೆಗೆದುಕೊಳ್ಳಬೇಕೆಂದು ಕಾಣುತ್ತದೆ.

ಕಿರಿಯ ಲೇಖಕರು ಯಾರಿಗೂ ಅರ್ಥವಾಗದ ಗೊಂದಲಗಳಲ್ಲಿ ಸಿಲುಕಿಕೊಂಡು ತಮ್ಮನ್ನು ತಾವು ಮೋಸಗೊಳಿಸಿಕೊಳ್ಳುವ ಬದಲು ಸಮಾಜಕ್ಕೆ ತಮ್ಮನ್ನು ತಾವು ತೆರೆದುಕೊಳ್ಳಬೇಕೆಂದೂ ಸಮಾಜದ ಅನಿಷ್ಟಗಳನ್ನು ಸರಿಪಡಿಸಬೇಕೆಂದೂ ಅವರು ಸೂಚಿಸುತ್ತಾರೆ. ಇದು ಕಿರಿಯ ಬರಹಗಾರರು ಅನುಭವ ಪಡೆಯುವ ಬಗ್ಗೆ ಉತ್ತಮ ಹಿತವಚನ. ಇನ್ನೊಂದು ಬಗೆಯಲ್ಲಿ ಇದು ನೀತಿ ಪಾಠ. ಇವೆರಡೂ ಕುವೆಂಪು ಮಾತುಗಳಲ್ಲಿರುವುದು ಎಂಥವರಿಗೂ ಕಂಡು ಬರುತ್ತದೆ.

ಆವೊತ್ತು ಮಾತಾಡುವ ಮೂಡಲ್ಲಿದ್ದರು ಕುವೆಂಪು ನಾವಿಬ್ಬರೂ ಕೆಲಸದ ಮೂಡಿನಲ್ಲಿದ್ದೆವು. ಅವರು ತಮ್ಮ ‘ರಾಮಾಯಣ ದರ್ಶನಂ’ನಿಂದ ಓದಿ ತೋರಿಸುವುದಾಗಿ ಸೂಚಿಸಿ ಬೇರೊಂದು ವಿಷಯ ಎತ್ತಿಕೊಂಡು ವಿವರಿಸತೊಡಗಿದರು. ‘ಪಾಂಚಾಲಿ’ ವಿವಿಧ ತೊಡಕುಗಳಲ್ಲಿ ಸಿಲುಕಿದ್ದ ನಾನು ಮತ್ತು ದೇವೇಗೌಡರು ನಮಸ್ಕಾರ ಹೇಳಿ ಹೊರಬಿದ್ದೆವು.

ಕುವೆಂಪು ಒಂದು ಸಂಸ್ಥೆ ಅಥವಾ ದೇವತೆಯಾಗಿ ಹುಂಬರ ಮನಸ್ಸಿನಲ್ಲಿ ಬೆಳೆಯುತ್ತಿದ್ದ ವೇಳೆಗೆ ಸರಿಯಾಗಿ ಅವರು ಮೈಕೊಡವಿಕೊಂಡು ಹೊರಬಂದು ಮನುಷ್ಯರೂ ವಿಚಾರವಾದಿಗಳೂ ಆಗಿ ಮಾತಾಡುತ್ತಿದ್ದುದು ನನಗೆ ಸಂತಸ ಉಂಟುಮಾಡಿತ್ತು.

——————————————————————-

ಲಂಕೇಶ್: ಸಾಮಾನ್ಯವಾಗಿ ಸಾರ್ವಜನಿಕ ಸಭೆಗಳಲ್ಲಿ ಮತ್ತು ವಾದವಿವಾದಗಳಲ್ಲಿ ಭಾಗವಹಿಸದ ತಾವು ಈಚೆಗೆ ಹೀಗೆ ಭಾಗವಹಿಸುವ ಮೂಲಕ ತಮ್ಮ ವಿಶಿಷ್ಟ ಬಗೆಯ ಕೀರ್ತಿಗೆ ಕಳಂಕ ತಂದುಕೊಳ್ಳುತ್ತಿರಬಹುದೇ ಎಂಬ ಅಳುಕು ತಮ್ಮ ಅಭಿಮಾನಿಗಳಲ್ಲಿ ಕೆಲವರಿಗಿದೆ. ಈ ಬಗ್ಗೆ ತಮ್ಮ ಅಭಿಪ್ರಾಯವೇನು?

ಕುವೆಂಪು: ಕೀರ್ತಿಗಿಂತಲೂ ನನಗೆ ಹೆಚ್ಚು ಪ್ರಿಯವಾದದ್ದು ಸತ್ಯ. ಸತ್ಯ ಹೇಳಿದರೆ ಕಲುಷಿತವಾಗುವ ಕೀರ್ತಿ ಭ್ರಷ್ಟಾಚಾರದ ವಸ್ತುವಾಗುತ್ತದೆ. ಅಲ್ಲದೆ ‘ಕೀರ್ತಿಶನಿ’ ಎಂಬ ನನ್ನ ಸಾನೆಟ್ಟಿನಲ್ಲಿ ಅನೇಕ ವರ್ಷಗಳ ಹಿಂದೆಯೇ ನಾನು ಅದನ್ನು ‘ತೊಲಗಾಚೆ’ ಎಂದು ತೊಲಗಿಸಿದ್ದೇನೆ. ಆದರೂ, ಶ್ರೀ ಎ.ಆರ್. ಕೃಷ್ಣಶಾಸ್ತ್ರಿಗಳು ಹೇಳಿದಂತೆ, ಶನಿ ಒಮ್ಮೆ ಬೆನ್ನು ಹತ್ತಿದರೆ ಬಿಡುವುದಿಲ್ಲವಂತೆ. ನನ್ನ ಮತ್ತೊಂದು ಸಾನೆಟ್ ‘ಯಶೋಲಕ್ಷ್ಮಿ’ ಈ ವಿಚಾರವಾಗಿ ನನ್ನ ಭಾವನೆ ಏನು ಎಂಬುದನ್ನು ತಿಳಿಸುತ್ತದೆ. ಕೀರ್ತಿ ಕಲುಷಿತವಾಗುವುದಿರಲಿ ಅಪಕೀರ್ತಿಯೆ ಬಂದರು ಸತ್ಯ ಹೇಳುವುದನ್ನು ಬಿಡುವುದಿಲ್ಲ.

ಲಂಕೇಶ್: ಕೆಟ್ಟಿರಲಿ, ಕೆಡದಿರಲಿ ಭಾರತೀಯ ಸಂಸ್ಕೃತಿಯೆಂದರೆ ವೈದಿಕ ಸಂಸ್ಕೃತಿಯೇ ಎಂಬ ಅಭಿಪ್ರಾಯದ ಬಗ್ಗೆ ನಿಮಗೇನೆನ್ನಿಸುತ್ತದೆ?

ಕುವೆಂಪು: ಇದೊಂದು ತಪ್ಪು ಅಭಿಪ್ರಾಯ. ಭಾರತೀಯ ಸಂಸ್ಕೃತಿ ಬರಿಯ ವೈದಿಕವಲ್ಲ. ಅವೈದಿಕವೂ ಅದರ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ. ಬೌದ್ಧ, ಜೈನಗಳಲ್ಲದೆ ನ್ಯಾಯ, ವೈಶ್ಲೇಷಿಕ, ಸಾಂಖ್ಯ, ಯೋಗ ದರ್ಶನಗಳೂ ವೇದದ ಪರಮ ಪ್ರಾಮಾಣ್ಯವನ್ನು ಅವಿಚಾರಕವಾಗಿ ಒಪ್ಪಬೇಕು ಅನ್ನುವುದಿಲ್ಲ. ನನ್ನದು ವಿಶ್ವಸಂಸ್ಕೃತಿ. ಅಭಾರತೀಯವೂ ಅದರಲ್ಲಿ ಸೇರಿದೆ. ಸನಾತನವೂ (ಪುರಾತನ ಅಲ್ಲ.) ಶಾಶ್ವತವೂ ಆಧ್ಯಾತ್ಮಿಕವೂ ವಿಚಾರ ಮತ್ತು ವಿಜ್ಞಾನಗಳಿಗೆ ಅವಿರುದ್ಧವೂ ಆಗಿರುವ ಸತ್ಯ ಎಲ್ಲಿಯೇ ಇರಲಿ ಅದನ್ನು ನಾನು ಸ್ವೀಕರಿಸಿದ್ದೇನೆ.

ಲಂಕೇಶ್: ಬ್ರಾಹ್ಮಣ ಜಾತಿಯಲ್ಲಿ ಹಲವು ಒಳಪಂಗಡಗಳಿದ್ದರೂ ಕೇವಲ ಒಂದು ಪಂಗಡವನ್ನು ನೀವು ಟೀಕಿಸಿದ್ದು ಕೇವಲ ಉದಾಹರಣೆಗೋ ಅಥವಾ ಆ ಪಂಗಡ ತೀರಾ ಮಲಿನಗೊಂಡಿದೆ ಎಂಬ ಕಾರಣಕ್ಕೋ?

ಕುವೆಂಪು: ನನ್ನ ಭಾಷಣ ಬ್ರಾಹ್ಮಣರಿಗಾಗಲಿ, ಮಾಧ್ವರಿಗಾಗಲೀ ನಿರ್ದೆಶಿಸಿದ್ದಲ್ಲ; ಒಕ್ಕೂಟದವರಿಗಾಗಿ ಮಾತ್ರ. ಜಗತ್ತಿನ ಪುರೋಹಿತಶಾಹಿ ಅವೈಚಾರಿಕ ಮತ್ತು ಅವೈಜ್ಞಾನಿಕ ಮೂಢ ಭಾವನೆಗಳ ಆಶ್ರಯದಲ್ಲಿ ಶ್ರೀ ಸಾಮಾನ್ಯರನ್ನು ಹೇಗೆ ವಂಚಿಸುತ್ತಾ ಬಂದಿದೆ ಎನ್ನುವುದನ್ನು ಕುರಿತು ವಿಚಾರವಾದಿಗಳಾಗಿ ಬಾಳನ್ನು ನಡೆಸಬೇಕು ಎನ್ನುವ ತರುಣರಿಗೆ ತಿಳಿಸುತ್ತಿದ್ದೆ. ಪ್ರಾಸಂಗಿಕವಾಗಿ, ನಾನು ಕೆಲವೇ ದಿನಗಳ ಹಿಂದೆ ಆ ಪುಸ್ತಕಗಳನ್ನು ಓದುತ್ತಿದ್ದು ಸಂಗತಿ ಮನಸ್ಸಿನಲ್ಲಿ ಹೊಚ್ಚ ಹೊಸದಾಗಿ ಇದ್ದುದರಿಂದ ಮಧ್ವ-ಜಯತೀರ್ಥರ ನಿದರ್ಶನಗಳನ್ನು ಕೊಟ್ಟೆನಷ್ಟೆ; ಆಮೇಲೆ ಗುಲ್ಲೆದ್ದ ಮತಭ್ರಾಂತರ ಗಲಾಟೆಯಿಂದಲೇ ಗೊತ್ತಾದದ್ದು ನಾನು ಎಂತಹ ಹೇಸಿಗೆಯ ಹೊಂಡಕ್ಕೆ ಕಲ್ಲು ಎಸೆದಿದ್ದೇನೆ ಎಂದು.

ಲಂಕೇಶ್: ತಮ್ಮ ಕಾವ್ಯದ ಮತ್ತು ಮುಖ್ಯ ಕಥಾಸಾಹಿತ್ಯದ (fiction) ಕೇಂದ್ರ ನಿಲುವು ವೈದಿಕ, ಆದರ್ಶಮಯ, ಅವಾಸ್ತವ ಎಂದು ಹಲವರು ಟೀಕಿಸುತ್ತಾರೆ. ಇದಕ್ಕೆ ತಮ್ಮ ಉತ್ತರವೇನು?

ಕುವೆಂಪು: ಅವರ ತಲೆ; ನನ್ನದು ವಿಶ್ವಪ್ರಜ್ಞೆ. ನಾನು ಭಾರತೀಯನಾಗಿ ಅದರಲ್ಲೂ ಕನ್ನಡಿಗನಾಗಿ ಹುಟ್ಟಿದ್ದರಿಂದ ಆ ಸಂಸ್ಕೃತಿಯ ಮತ್ತು ಆ ಭಾಷೆಯ ಪರಿಭಾಷೆಯನ್ನು ಅನಿವಾರ್ಯವಾಗಿ ಉಪಯೋಗಿಸುತ್ತೇನಷ್ಟೆ. ಸತ್ಯ ವೈದಿಕವಾಗಿ ಪ್ರಕಟವಾದ ಮಾತ್ರಕ್ಕೆ ಅಸತ್ಯವಾಗುವುದಿಲ್ಲ. ಆದರ್ಶಮಯವಾದ ಮಾತ್ರಕ್ಕೆ ಅವಾಸ್ತವವಾಗುವುದಿಲ್ಲ. ನನ್ನ ಭಾಷಣದ ಉದ್ದೇಶವೆ ಒಕ್ಕೂಟದ ಹುಡುಗರನ್ನು ಅಂತಹ ತಪ್ಪುದಾರಿಗೆ ಹೋಗದಿರುವಂತೆ ತಡೆಯಬೇಕು ಎಂಬುದಾಗಿತ್ತು. ಚಿನ್ನದ ಒಡವೆಯನ್ನು ಅಕ್ಕಸಾಲಿ ಮಾಡಿದ ಮಾತ್ರಕ್ಕೆ ಚಿನ್ನ ಅಸತ್ಯವಾಗುತ್ತದೆಯೇ? ಗ್ರಾವಿಟೇಶನ್ ಸಿದ್ಧಾಂತವನ್ನು ನ್ಯೂಟನ್ ಕಂಡುಹಿಡಿದ ಮಾತ್ರಕ್ಕೆ ಅದು ಕ್ರೈಸ್ತವಾಗುತ್ತದೆಯೇ? ವೇದದ ಋಷಿ ಸನಾತನ ಶಾಶ್ವತ ಸತ್ಯವನ್ನು ಸಾಕ್ಷಾತ್ಕರಿಸಿಕೊಂಡು ಅದಕ್ಕೆ ‘ಬ್ರಹ್ಮನ್’ ಎಂದು ಹೆಸರು ಕೊಟ್ಟ ಮಾತ್ರಕ್ಕೆ ಆ ಸತ್ಯ ಆ ಋಷಿಯ ಸೃಷ್ಠಿಯಾಗುತ್ತದೆಯೇ? ಆ ಸತ್ಯ ಋಷಿಗೆ ಪೂರ್ವದಲ್ಲಿಯೇ ಇದ್ದುದು; ಆ ಋಷಿ ಮಾತ್ರವಲ್ಲ ಮನುಷ್ಯರೆಲ್ಲ ಮುಗಿದ ಮೇಲೆಯೂ ಆ ಸತ್ಯಕ್ಕೆ ಚ್ಯುತಿ ಬರುವುದಿಲ್ಲ. ಗುರುತ್ವಾಕರ್ಷಣ ಶಕ್ತಿ ನ್ಯೂಟನ್ನಿಗೆ ಪೂರ್ವದಲ್ಲಿಯೂ ಇತ್ತು, ಮನುಷ್ಯ ಕುಲವೇ ನಾಶವಾದ ಮೇಲೆಯೂ ಇರುತ್ತದೆ.

ಅಂತಹ ಸತ್ಯವನ್ನು ನಿತ್ಯ, ಸನಾತನ ಶಾಶ್ವತ ಎನ್ನುತ್ತೇವೆ. ಬೇರೆ ಬೇರೆ ದೇಶಗಳು, ಬೇರೆ ಬೇರೆ ಭಾಷೆಗಳೂ ಬೇರೆ ಬೇರೆ ಹೆಸರು ಕೊಡಬಹುದಷ್ಟೆ. ನನ್ನ ಜೀವನ ದರ್ಶನ ಅಂತಹ ಅಚ್ಯುತ ಸತ್ಯದ ಮೇಲೆ ನಿಂತಿದೆ. ನನ್ನ ಸಾಹಿತ್ಯವೂ ಅದನ್ನೆ ಅಭಿವ್ಯಕ್ತಗೊಳಿಸುತ್ತದೆ. ಅದನ್ನು ‘ನಿಮ್ಮಲ್ಲಿ’ ಕೆಲವರು ‘ವೈದಿಕ’ ಎಂದು ನಿಂದಿಸುವಂತೆ ‘ಅವರಲ್ಲಿ’ ಕೆಲವರು ‘ಅವೈದಿಕ’ ಎಂದೂ ತಿರಸ್ಕರಿಸುತ್ತಾರೆ. ಆದರೆ ನನ್ನ ಸಾಹಿತ್ಯ ಉದ್ಭವಿಸುವುದು ಬದುಕಿನಿಂದ, ಬದುಕಿಗಾಗಿ; ಮತ್ತು ಬದುಕಿನಾಚೆಯ ಬದುಕಿಗಾಗಿ.

ಲಂಕೇಶ್: ಈಚೆಗೊಬ್ಬರು ತಮ್ಮ ಸಾಮಾಜಿಕ ವಿಮರ್ಶೆಯನ್ನು ಕುರಿತು ಹೇಳುತ್ತಾ ‘ಕುವೆಂಪು ಅವರ ಮಾತಿನಲ್ಲಿ ಬ್ರಾಹ್ಮಣ ವಿರೋಧಿ ಧ್ವನಿ ಕೇಳಿ ಬರುತ್ತಿದ್ದರೆ ಅದಕ್ಕೆ ಕಾರಣವನ್ನು ಅವರ ವೈಯಕ್ತಿಕ ಅನುಭವದಲ್ಲಿ ಹುಡುಕಬೇಕು’ ಎಂದಿದ್ದಾರೆ. ಇದಕ್ಕೆ ತಮ್ಮ ಪ್ರತಿಕ್ರಿಯೆ?

ಕುವೆಂಪು: ಶುದ್ಧ ಅಪಾರ್ಥ! ಮೊದಲನೆಯದಾಗಿ ಅದು ಬ್ರಾಹ್ಮಣ ವಿರೋಧಿ ಧ್ವನಿಯಲ್ಲ. ಅಂದರೆ ಬೌದ್ಧ, ಜೈನ, ಕ್ರೈಸ್ತ, ಇಸ್ಲಾಂ ಮತ್ತು ಲಿಂಗಾಯಿತ ಪುರೋಹಿತಶಾಹಿಯನ್ನೂ ಒಳಗೊಂಡಿದೆ. ನನ್ನ ಪುರೋಹಿತಶಾಹಿ ಖಂಡನೆಗೆ ಕಾರಣವನ್ನು ನನಗಿರಬಹುದಾದ ವೈಯಕ್ತಿಕ ಅನುಭವದಲ್ಲಿ ಹುಡುಕುವುದು ಅತ್ಯಂತ ಹಾಸ್ಯಾಸ್ಪದ. ನನ್ನ ಮೂವತ್ತು ನಲವತ್ತು ವರ್ಷದ ಹಿಂದಿನ ಬರಹವನ್ನು ಯಾರೋ ಒಬ್ಬರು ಅಂದು ಟೀಕಿಸಿದುದಕ್ಕಾಗಿ ಇಂದು ನಾನು ನಲವತ್ತು ವರ್ಷಗಳ ಮೇಲೆ ರೊಚ್ಚು ತೀರಿಸಿಕೊಳ್ಳುವುದಕ್ಕೆ ಹಾಗೆ ಮಾತನಾಡಿದೆನೆಂದು ಹೇಳುವುದು ನನ್ನ ವ್ಯಕ್ತಿತ್ವಕ್ಕೆ ಅತ್ಯಂತ ‘ಅಲ್ಪತನ’ ಆರೋಪಿಸಿದಂತಾಗುತ್ತದೆ. ನಾನು ಅಷ್ಟು ‘ಸಣ್ಣ’ವನಲ್ಲ. ನಲವತ್ತು ಐವತ್ತು ವರ್ಷಗಳಿಂದಲೂ ನಾನು ಗದ್ಯ, ಪದ್ಯ, ನಾಟಕ ಎಲ್ಲದರಲ್ಲಿಯೂ ಹೇಳುತ್ತಾ ಬಂದಿರುವುದನ್ನೆ ಮೊನ್ನೆಯು ಹೇಳಿದ್ದೇನೆ ಅಷ್ಟೆ. ಆದರೆ ಇವರು ಯಾರೂ ನೀವೂ ಸೇರಿ, ನನ್ನ ಬರಹಗಳನ್ನು ಅಷ್ಟು ಆಸ್ಥೆಯಿಂದ ಓದಿಯೇ ಇಲ್ಲ ಎಂಬುದು ನನ್ನ ಗುಮಾನಿ. ಇಡೀ ರಾಮಾಯಣದರ್ಶನವೆ ನನ್ನ ‘ದರ್ಶನ’ಕ್ಕೆ ಒಡ್ಡಿದ ಮಹಾ ಪ್ರತಿಮೆಯಾಗಿದೆ. (ನಿಮ್ಮ ಎರಡನೆಯ ಪ್ರಶ್ನೆಗೆ ಕೊಟ್ಟಿರುವ ಉತ್ತರವನ್ನೂ ನೋಡಬಹುದು.)

ಲಂಕೇಶ್: ‘ಬ್ರಾಹ್ಮಣ’ ‘ಶೂದ್ರ’ ‘ಮಣ್ಣಿನ ವಾಸನೆ’ ಇತ್ಯಾದಿ ಮಾತು ಬಹಳವಾಗಿ ಕೇಳಿಬರುತ್ತಿರುವ ಈ ಕಾಲದಲ್ಲಿ ಬ್ರಾಹ್ಮಣ, ಶೂದ್ರರ ಭಾಷೆ, ಅನುಭವ ದೃಷ್ಟಿಯನ್ನು ಕುರಿತ ತಮ್ಮ ವಿಶ್ಲೇಷಣೆ ಏನು?

ಕುವೆಂಪು: ಈ ಮಾತುಗಳೆಲ್ಲ ಮತ್ತೆ ಪುರೋಹಿತಶಾಹಿಯ ಪಿತೂರಿಯ ಟಂಕಸಾಲೆಯ ನಾಣ್ಯಗಳೆ. ನಿಮ್ಮನ್ನು ದಿಕ್ಕು ತಪ್ಪಿಸಿ ಬದುಕಿನ ಋಜುಮಾರ್ಗದಿಂದ ಕಟಂಕಿತ ಮಾರ್ಗಕ್ಕೆ ತಳ್ಳುವ ಉಪಾಯದಿಂದಲೆ ಅವರು ಅವನ್ನು ಹುಟ್ಟಿಸಿದ್ದಾರೆ. ನೀವೂ ಹಿಂದಿನಂತೆಯೇ ಇಂದು ಬೆಪ್ಪುಗಳಾಗಿ ಅದಕ್ಕೆ ವಶರಾಗಿ, ಜನರ ಬದುಕನ್ನು ಮತಮೌಢ್ಯದಿಂದ ಪಾರು ಮಾಡಿ ಅವರನ್ನು ವೈಚಾರಿಕ ಬುದ್ಧಿ ಮತ್ತು ವೈಜ್ಞಾನಿಕ ದೃಷ್ಟಿ ಸಂಪನ್ನರಾಗಿ ಪರಿವರ್ತಿಸಿ ಅವರ ಮನಸ್ಸು ಮತ್ತು ಹೃದಯಗಳನ್ನು ಬೆಳಗುವ, ಅವರ ಸೋತ ಹೃದಯಗಳನ್ನು ಹುರಿದುಂಬಿಸುವ, ಮತ್ತು ವರ್ಣ, ಜಾತಿ ಭೇದಭಾವನೆಗಳನ್ನೆಲ್ಲ ಕಸದ ಬುಟ್ಟಿಗೆ ತೂರಿ ಅವರನ್ನು ಸಮಾನತಾವಾದಿಗಳನ್ನಾಗಿ ಪರಿವರ್ತಿಸುವ ಸಾಹಿತ್ಯ ಸೃಷ್ಟಿ ಮಾಡುವ ಬದಲು, ಗುಂಪುಗಾರಿಕೆಗಲ್ಲದೆ ಮತ್ತೆ ಯಾರಿಗೂ ಬೇಡದ ಮತ್ತು ಯಾರಿಗೂ ಅರ್ಥವಾಗದ ‘ನವ್ಯ’ ನಾಮಕ ವಿಕಾರ ಸೃಷ್ಟಿಗೆ ಮರುಳಾಗಿ ಹೋಗಿದ್ದೀರಿ. ಅಂತಹ ಕೃತಕ ಅನುಕರಣೀಯ ಪಂಥಗಳನ್ನೆಲ್ಲ ನಿಮ್ಮ ಹೃದಯದಿಂದ ಕಿತ್ತೊಗೆದು, ನಿಮ್ಮವರ ಬದುಕನ್ನು ನೇರವಾಗಿ ನೋಡಿ ಅದರಿಂದ ಉದ್ಭವಿಸುವ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಅವರನ್ನು ಮೇಲಕ್ಕೆತ್ತುವ ಧೀರಭಾವಗಳನ್ನೂ ಕ್ರಿಯಾಶೀಲ ಆದರ್ಶಗಳನ್ನೂ ನಿಮ್ಮ ಬರವಣಿಗೆಗಳಲ್ಲಿ ನೀಡಬೇಕಾಗಿರುವುದು ಸದ್ಯದ ನಿಮ್ಮ ಆದ್ಯ ಕರ್ತವ್ಯ. ಪುರೋಹಿತಶಾಹಿಯ ಮೆಚ್ಚುಗೆಗೂ ಹೊಗಳಿಕೆಗೂ ಹಾತೊರೆದು ಬಾಯಿ ಬಿಟ್ಟು ನಿಮ್ಮ ಪೌರುಷ ತೇಜಸ್ಸುಗಳಿಗೆ ಅಪಮಾನ ಮಡಿಕೊಳ್ಳುವುದನ್ನು ಒಡನೆಯೇ ನಿಲ್ಲಿಸಿಬಿಡಿ. (ಮಾನಸ ಗಂಗೋತ್ರಿಯಲ್ಲಿ ಏರ್ಪಡಿಸಿದ್ದ ಲೇಖಕರ ಗೋಷ್ಠಿಯನ್ನು ಉದ್ಘಾಟಿಸುತ್ತಾ ನಾನು ಮಾಡಿದ ಭಾಷಣವನ್ನು ಗಮನವಿಟ್ಟು ಓದಿ ನೋಡಿದರೆ ನನ್ನ ಅಭಿಪ್ರಾಯಗಳು ಸ್ಪಷ್ಟಗೊಳ್ಳುತ್ತವೆ.)

ಲಂಕೇಶ್: ಕನ್ನಡ ಸಾಹಿತಿಗಳು ಬಹುಕಾಲದಿಂದ ಈ ನಾಡ ಹೆಸರಿನ ಬದಲಾವಣೆ, ಕನ್ನಡ ಮಾಧ್ಯಮ ಕುರಿತು ಮಾತನ್ನಾಡುತಿದ್ದರೂ ಕೇವಲ ಹೆಸರಿನ ಬದಲಾವಣೆ ಮಾತ್ರ ಆಗಿ ಮಾಧ್ಯಮದ ಪ್ರಶ್ನೆ ಹಾಗೇ ಉಳಿದಿದೆ. ಇದು ಸಾಹಿತಿಯ ಪ್ರಭಾವದ ದೌರ್ಬಲ್ಯ ತೋರುತ್ತದೆಯೆ?

ಕುವೆಂಪು: ಹಾಗೇನಿಲ್ಲ, ಈಗಾಗಲೆ ತಕ್ಕಷ್ಟು ಕಾರ್ಯ ನಡೆದಿದೆ. ನಡೆಯುತ್ತಲೂ ಇದೆ. ಜನತೆ, ಸರಕಾರ, ಸಾಹಿತ್ಯ ಪರಿಷತ್ತು ಮತ್ತು ವಿಶ್ವವಿದ್ಯಾಲಯಗಳು ಎಲ್ಲವೂ ಕನ್ನಡ ಮಾಧ್ಯಮ ತತ್ವವನೊಪ್ಪಿ ಕ್ರಿಯಾಶೀಲವಾಗಿ ಮುಂದುವರೆಯುತ್ತಿವೆ. ಅದು ಪೂರ್ತಿ ಕೈಗೂಡಲು ತುಸು ಸಮಯ ಬೇಕಾಗಬಹುದು ಅಷ್ಟೆ.

ಲಂಕೇಶ್: ಈ ನಾಡ ತರುಣರಿಗೆ ತಮ್ಮ ಹಿತವಚನವೇನು?

ಕುವೆಂಪು: ನನ್ನ ಸಾಹಿತ್ಯದಲ್ಲಿ- ಕತೆ, ಕಾದಂಬರಿ, ಭಾವಗೀತೆ, ಕಾವ್ಯ, ಮಹಾಕಾವ್ಯ, ಜೀವನ ಚರಿತ್ರೆ, ಭಾಷಣ, ವಿಮರ್ಶೆ ಇತ್ಯಾದಿ- ನಾನು ಹೇಳಬೇಕಾದ್ದೆಲ್ಲವನ್ನೂ ಹೇಳಿದ್ದೇನೆ. ಇಷ್ಟವಿರುವ ತರುಣರು ಅವುಗಳನ್ನು ಮನಸ್ಸಿಟ್ಟು ಓದಲಿ. ವಿಶೇಷವಾಗಿ, ಅದರ ಮುನ್ನುಡಿ ಸಹಿತ ‘ಆತ್ಮಶ್ರೀಗಾಗಿ ನಿರಂಕುಶಮತಿಗಳಾಗಿ’ ಎಂಬ ಪುಸ್ತಕದ ನಾಲ್ಕು ಭಾಷಣಗಳನ್ನಾದರೂ ಓದಲಿ. ಆದರೆ ನಾಲ್ಕನ್ನೂ ಸಮಗ್ರವಾಗಿ ತೆಗೆದುಕೊಳ್ಳಬೇಕು, ಅಷ್ಟೆ.- ಸರ್ವೋದಯ, ಸಮನ್ವಯ ಮತ್ತು ಪೂರ್ಣದೃಷ್ಟಿ ಇವುಗಳೇ ಎಲ್ಲರ ಧ್ಯೇಯಮಂತ್ರಗಳಾಗಲಿ.

ಕೃಪೆ: -‘ಪಾಂಚಾಲಿ’ (ದೀಪಾವಳಿ-ರಾಜ್ಯೋತ್ಸವ ವಿಶೇಷ ಸಂಚಿಕೆ, ಪುಟ: 11-14, 1974)
ಸಂಪಾದಕರು: ಪಿ. ಲಂಕೇಶ್

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ4 minutes ago

ಚಿತ್ರದುರ್ಗ | ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಅಮರ್‌ನಾಥ್ ಜೈನ್ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ: 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಚಿತ್ರದುರ್ಗ ಜಿಲ್ಲೆಯ 6 ತಾಲ್ಲೂಕುಗಳಿಗೆ ಬಿಡುಗಡೆಯಾದ ಅನುದಾನಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಇಲಾಖಾ ತನಿಖೆಗೆ...

ದಿನದ ಸುದ್ದಿ1 week ago

ಸರ್ಕಾರಿ ಪ್ರಥಮ‌ ದರ್ಜೆ ಮಹಿಳಾ ಕಾಲೇಜಿನಲ್ಲಿ ಇಂಗ್ಲೀಶ್ ಪಠ್ಯಕ್ರಮ ಕಾರ್ಯಗಾರ

ಸುದ್ದಿದಿನ,ದಾವಣಗೆರೆ:ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಹಾಗೂ ದಾವಣಗೆರೆ ವಿಶ್ವವಿದ್ಯಾಲಯದ ಇಂಗ್ಲೀಷ್ ಪ್ರಾಧ್ಯಾಪಕರ ವೇದಿಕೆಯ (FODCET) ಸಂಯುಕ್ತ ಆಶ್ರಯದಲ್ಲಿ “ರಾಜ್ಯ ಶಿಕ್ಷಣ ನೀತಿ (S.E.P) ಇಂಗ್ಲೀಷ್...

ದಿನದ ಸುದ್ದಿ2 weeks ago

ಮೆಗಾ ಉದ್ಯೋಗ ಮೇಳ ವಿದ್ಯಾಭ್ಯಾಸದೊಂದಿಗೆ ಕೌಶಲ್ಯತೆಗೂ ಆದ್ಯತೆ ನೀಡಿ : ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್

ಸುದ್ದಿದಿನ,ದಾವಣಗೆರೆ:ಮಕ್ಕಳಿಗೆ ಸರಿಯಾದ ವಿದ್ಯಾಭ್ಯಾಸದ ಜೊತೆಗೆ ಕೌಶಲ್ಯ ಶಿಕ್ಷಣಕ ಕಲಿಸಬೇಕು. ಯುವ ಜನತೆ ವಿದ್ಯಾರ್ಥಿ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕೆಂದು ಎಂದು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು. ಸೋಮವಾರ(ಫೆ.23) ರಂದು ನಗರದ...

ದಿನದ ಸುದ್ದಿ2 weeks ago

ಫೆಬ್ರವರಿ ಮಾಹೆಗೆ ಪಡಿತರ ಹಂಚಿಕೆ

ಸುದ್ದಿದಿನ,ದಾವಣಗೆರೆ:ಫೆಬ್ರವರಿ-26ರ ಮಾಹೆಗೆ ಅನ್ವಯವಾಗುವಂತೆ ವಿವಿಧ ವರ್ಗದ ಪಡಿತರ ಚೀಟಿದಾರರಿಗೆ ಪಡಿತರ ಹಂಚಿಕೆ ಮಾಡಲಾಗಿದೆ. ಅಂತ್ಯೋದಯ ಕಾರ್ಡದಾರರಿಗೆ 1 ರಿಂದ 3 ಸದಸ್ಯರಿರುವ ಕಾರ್ಡಿಗೆ 35 ಕೆ.ಜಿ ಅಕ್ಕಿ,...

ದಿನದ ಸುದ್ದಿ3 weeks ago

ಜನರಿಗೆ ಗುಣಮಟ್ಟದ ಪೌಷ್ಟಿಕ ಆಹಾರ ಒದಗಿಸುವುದು ಅಧಿಕಾರಿಗಳ ಕರ್ತವ್ಯ : ಡಾ.ಹೆಚ್.ಕೃಷ್ಣ

ಸುದ್ದಿದಿನ,ದಾವಣಗೆರೆ:ಆಹಾರ ಪಡೆಯುವುದು ಜನರ ಹಕ್ಕು, ಅದನ್ನು ಅನುಷ್ಠಾನಗೊಳಿಸುವುದು ನಮ್ಮ, ನಿಮ್ಮೆಲ್ಲರ ಕರ್ತವ್ಯ. ಅದಕ್ಕೆ ಪೂರಕವಾದ ವಾತಾವರಣವನ್ನು ನಿರ್ಮಿಸುವುದು ಸಹ ನಮ್ಮೆಲ್ಲರ ಜವಾಬ್ದಾರಿ. ಜನರಿಗೆ ಕೇವಲ ಆಹಾರ ಧಾನ್ಯಗಳನ್ನು...

ದಿನದ ಸುದ್ದಿ3 weeks ago

ದಾವಣಗೆರೆ | ಕಂದಾಯ ಹಕ್ಕು ಪತ್ರ ಮತ್ತು ಪಾವತಿ ಆಂದೋಲನ

ಸುದ್ದಿದಿನ,ದಾವಣಗೆರೆ:ಜಿಲ್ಲೆಯಲ್ಲಿ 298 ಗ್ರಾಮಗಳನ್ನು ಕಂದಾಯ ಗ್ರಾಮಗಳನ್ನಾಗಿ ಘೋಷಿಸಲಾಗಿದ್ದು, ಈಗಾಗಲೇ 12,000ಕ್ಕೂ ಹೆಚ್ಚು ಹಕ್ಕು ಪತ್ರಗಳನ್ನು ವಿತರಿಸಲಾಗಿದ್ದು, ಬಾಕಿ ಇರುವವರು ತಹಶೀಲ್ದಾರ್ ಕಚೇರಿಗೆ ಅರ್ಜಿ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ...

ದಿನದ ಸುದ್ದಿ3 weeks ago

ತಾಲೂಕುಗಳಲ್ಲಿ ಕನ್ನಡ ಭವನ ನಿರ್ಮಾಣ | ಭದ್ರಾ ನಾಲೆ ನೀರು ನಿರ್ವಹಣೆ

ಸುದ್ದಿದಿನ,ದಾವಣಗೆರೆ:ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಕನ್ನಡ ಭವನ ನಿರ್ಮಾಣಕ್ಕಾಗಿ ಸ್ಥಳ ಗುರುತಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ತಿಳಿಸಿದರು. ಗುರುವಾರ(ಫೆ.19) ರಂದು ಜಿಲ್ಲಾಡಳಿತ ಕಚೇರಿ...

ದಿನದ ಸುದ್ದಿ3 weeks ago

ಏ.1 ರಿಂದ 2026ರ ಡಿಜಿಟಲ್ ಜನಗಣತಿ

ಸುದ್ದಿದಿನ,ದಾವಣಗೆರೆ :2026ರ ಜನಗಣತಿ ಪ್ರಕ್ರಿಯೆ ಏಪ್ರಿಲ್ 1 ರಿಂದ ಆರಂಭವಾಗಲಿದ್ದು, ಈ ಬಾರಿ ಸಂಪೂರ್ಣ ಡಿಜಿಟಲ್ ರೂಪದಲ್ಲಿ ಜನಗಣತಿ ನಡೆಯಲಿದೆ. ಸಾರ್ವಜನಿಕರು ಆನ್‌ಲೈನ್ ಮೂಲಕ ಸ್ವಯಂ ದೃಢೀಕರಣ...

ದಿನದ ಸುದ್ದಿ3 weeks ago

ದುರ್ಗಾಂಬಿಕ ಜಾತ್ರೆ ; ಫ್ಲೆಕ್ಸ್ ಹಾವಳಿ ವಿರುದ್ಧ ಕಠಿಣ ಕ್ರಮ

ಸುದ್ದಿದಿನ,ದಾವಣಗೆರೆ:ದುರ್ಗಾಂಬಿಕಾ ಜಾತ್ರೆಯ ಸಂದರ್ಭದಲ್ಲಿ ನಗರದ ಪರಿಸರ ಮಾಲಿನ್ಯಕ್ಕೆ ಧಕ್ಕೆ ತರುವಂತೆ ಅನಧಿಕೃತ ಫ್ಲೆಕ್ಸ್ ಅಳವಡಿಸುವವರ ವಿರುದ್ಧ ‘ಡಿ ಫಿಗರ್‌ಮೆಂಟ್ ಆಕ್ಟ್’ ಅಡಿಯಲ್ಲಿ ನಿರ್ದಾಕ್ಷಿಣ್ಯವಾಗಿ ಎಫ್‌ಐಆರ್ ದಾಖಲಿಸಲಾಗುವುದು ಎಂದು...

ದಿನದ ಸುದ್ದಿ3 weeks ago

ಎಸ್.ಎಸ್.ಎಲ್.ಸಿ, ಪಿಯುಸಿ ಫಲಿತಾಂಶ ಸುಧಾರಣೆಗೆ ಕ್ರಮ: ಡಿಸಿ ಜಿ.ಎಂ.ಗಂಗಾಧರಸ್ವಾಮಿ

ಸುದ್ದಿದಿನ,ದಾವಣಗೆರೆ:ಜಿಲ್ಲೆಯಲ್ಲಿ ಮುಂಬರುವ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಪರೀಕ್ಷೆಗಳನ್ನು ಅತ್ಯಂತ ಪಾರದರ್ಶಕವಾಗಿ ಮತ್ತು ಸುಸೂತ್ರವಾಗಿ ನಡೆಸುವ ಮೂಲಕ ವಿದ್ಯಾರ್ಥಿಗಳಲ್ಲಿ ಪರೀಕ್ಷಾ ಭಯವನ್ನು ನಿವಾರಿಸಿ ಫಲಿತಾಂಶ ಸುಧಾರಣೆ ಮಾಡುವ ನಿಟ್ಟಿನಲ್ಲಿ...

Trending