ಸಿನಿ ಸುದ್ದಿ
ತಮಿಳುನಾಡಿನಲ್ಲಿ ಕೆಜಿಎಫ್ ಚಿತ್ರವನ್ನು ರದ್ದು ಪಡಿಸಿದ್ದನ್ನು ಖಂಡಿಸಿ ಪ್ರತಿಭಟನೆ
ಸುದ್ದಿದಿನ,ಮಂಡ್ಯ : ತಮಿಳುನಾಡಿನಲ್ಲಿ ಕನ್ನಡ ಚಿತ್ರ ಕೆಜಿಎಫ್ ಬಿಡುಗಡೆ ಮಾಡಲು ಅವಕಾಶ ನೀಡದ ಹಾಗೂ ವಿತರಕ ವಿಶಾಲ್ ಮೇಲೆ ಹಲ್ಲೆ ಮಾಡಿರುವ ಕ್ರಮ ಖಂಡಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ವತಿಯಿಂದ ಮದ್ದೂರಿನ ಸರ್ಕಾರಿ ಬಸ್ ನಿಲ್ದಾಣದ ಬಳಿ ಬೆಂಗಳೂರು ಮೈಸೂರು ಹೆದ್ದಾರಿ ಸಂಚಾರ ತಡೆದು ಪ್ರತಿಭಟನೆ ಮಾಡಲಾಯಿತು.
ಇದೇ ಸಂದರ್ಭದಲ್ಲಿ ತಮಿಳು ಚಿತ್ರದ ಪೋಸ್ಟರ್ ಗಳನ್ನು ಹೆದ್ದಾರಿಯಲ್ಲಿ ಬೆಂಕಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿ, ಹೆದ್ದಾರಿ ಸಂಚಾರ ತಡೆದ ಪರಿಣಾಮ ಸಂಚಾರ ಅಸ್ತವ್ಯಸ್ತಗೊಂಡಿತ್ತು.
ವೇದಿಕೆಯ ರಾಜ್ಯಾಧ್ಯಕ್ಷ ರಮೇಶ್ ಗೌಡ ಮಾತನಾಡಿ ತಮಿಳುನಾಡಿನಲ್ಲಿ ಕೆಜಿಎಫ್ ಚಿತ್ರ ಪ್ರದರ್ಶನ ನಾಳೆ ಮಧ್ಯಾಹ್ನ 12 ಗಂಟೆ ವೇಳೆಗೆ ಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡದೆ ಹೋದರೆ ತಮಿಳುನಾಡಿನಿಂದ ರಾಜ್ಯಕ್ಕೆ ಬರುವ ವಾಹನಗಳನ್ನು ಹಾಗೂ ಹಾಲು, ಪತ್ರಿಕೆ ಹಾಗೂ ಶಿವಕಾಶಿಯಿಂದ ಬರುವ ಪಟಾಕಿ ಸೇರಿದಂತೆ ಇನ್ನಿತರ ವಸ್ತುಗಳನ್ನು ಬರಲು ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.
ಜತೆಗೆ ಚಿತ್ರ ವಿತರಕ ವಿಶಾಲ್ ಅವರ ಮೇಲೆ ಮರಣಾಂತಿಕ ಹಲ್ಲೆ ಮಾಡಿರುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಬೇಕು ಹಾಗೂ ತಮಿಳುನಾಡಿನಲ್ಲಿ ಕನ್ನಡ ಚಿತ್ರ ಪ್ರದರ್ಶನ ಮಾಡಲು ಮುಕ್ತ ಅವಕಾಶ ನೀಡಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ವಿ.ಸಿ.ಉಮಾಶಂಕರ್, ಬೆಂಗಳೂರು ನಗರ ಅಧ್ಯಕ್ಷ ರಾಜೇಶ್,ರಾಮನಗರ ಜಿಲ್ಲಾ ಅಧ್ಯಕ್ಷ ಯೋಗೀಶ್ ಗೌಡ,ಬೆಂಗಳೂರು ಕಾರ್ಯಾಧ್ಯಕ್ಷ ಚಂದ್ರೇಗೌಡ, ಯುವ ಘಟಕದ ಅಧ್ಯಕ್ಷ ರಂಜಿತ್ ಗೌಡ, ಮುಖಂಡರಾದ ಮರಿಅಂಕೇಗೌಡ, ವಿ.ಟಿ.ಕೆಂಚಪ್ಪ, ಯಾಕೂಬ್, ಮಹಲಿಂಗು, ಕುಮಾರ್, ಉಮೇಶ್ ಸೇರಿದಂತೆ ಇನ್ನಿತರ ರು ಹಾಜರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401