ದಿನದ ಸುದ್ದಿ
ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆ ಅನುಷ್ಟಾನ
ಸುದ್ದಿದಿನ,ಶಿವಮೊಗ್ಗ : ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು ಪ್ರಸಕ್ತ ಸಾಲಿನ ವಿವಿಧ ಯೋಜನೆಯಡಿ ಅಲ್ಪಸಂಖ್ಯಾತರ ಸಮುದಾಯದವರಿಗೆ (ಮುಸ್ಲಿಂ, ಕ್ರೈಸ್ತ, ಜೈನ, ಬೌದ್ದ, ಸಿಖ್ಖ್, ಪಾರ್ಸಿ) ಸಾಲ ಸೌಲಭ್ಯ ನೀಡಲು ಉದ್ದೇಶಿಸಿದ್ದು, ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಅಹ್ವಾನಿಸಿದೆ.
ಅರ್ಜಿ ಸಲ್ಲಿಸಲಿಚ್ಚಿಸುವ ಅಭ್ಯರ್ಥಿಗಳು ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದವರಾಗಿದ್ದು, 18-45ವರ್ಷ ವಯೋಮಿತಿಯೊಳಗಿನವರಾಗಿದ್ದು, ಕರ್ನಾಟಕ ರಾಜ್ಯದಲ್ಲಿ ಖಾಯಂ ವಾಸಿಯಾಗಿರಬೇಕು. ಅಭ್ಯರ್ಥಿಯ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ. 81,000/-, ನಗರ ಪ್ರದೇಶದವರಿಗೆ 1.03ಲಕ್ಷ ರೂ. ಮೀರಿರಬಾರದು ಹಾಗೂ ಅರಿವು ಯೋಜನೆಯಡಿ ಮಾತ್ರ ಕುಟುಂಬದ ವಾ.ಆ. ರೂ. 6.00 ಲಕ್ಷ ಮೀರಿರಬಾರದು. ತಮ್ಮ ವಿಳಾಸದ ದೃಢೀಕರಣಕ್ಕಾಗಿ ಆಧಾರ್ ಪ್ರತಿಯನ್ನು ಮತ್ತು ಅದನ್ನು ಬ್ಯಾಂಕ್ನ ಉಳಿತಾಯ ಖಾತೆಗೆ ಹೊಂದಾಣಿಕೆ (ಲಿಂಕ್) ಮಾಡಿರಬೇಕು.
ಯೋಜನೆಗಳು
ಸ್ವಯಂ ಉದ್ಯೋಗ ಯೋಜನೆ
ಈ ಯೋಜನೆಯಲ್ಲಿ ಅಲ್ಪಸಂಖ್ಯಾತರಿಗೆ ವ್ಯಾಪಾರ, ಸೇವಾ ಉದ್ದಿಮೆ, ಗುಡಿ ಕೈಗಾರಿಕೆ ಹಾಗೂ ಕೃಷಿ ಆಧಾರಿತ ಕಾರ್ಯಗಳಿಗೆ ರಾಷ್ಟ್ರೀಕೃತ ಬ್ಯಾಂಕುಗಳಿಂದ ಗರಿಷ್ಠ 35ಸಾವಿರ ರೂ.ಗಳನ್ನು ಸಹಾಯಧನ ಹಾಗೂ ಘಟಕವೆಚ್ಚ ಗರಿಷ್ಠ 2 ಲಕ್ಷ ರೂ ಸಹಾಯಧನವನ್ನು ಚಾಲ್ತಿ ಬಡ್ಡಿದರದಲ್ಲಿ ಸಾಲ ನೀಡಲಾಗುವುದು.
ಶ್ರಮಶಕ್ತಿ ಯೋಜನೆ
ಸಾಂಪ್ರದಾಯಿಕ ಕುಶಲಕರ್ಮಿಗಳಿಗೆ ಹಾಗೂ ಕುಲಕಸುಬುದಾರರಿಗೆ ತಂತ್ರಜ್ಞಾನ ಬಳಸಿ ತಮ್ಮ ಸಾಂಪ್ರದಾಯಿಕ ಮಾರುಕಟ್ಟೆ ಹಾಗೂ ವೃತ್ತಿ ಕೌಶಲ್ಯವನ್ನು ಅಭಿವೃದ್ದಿ ಪಡೆಸಿಕೊಳ್ಳಲು ಗರಿಷ್ಠ 50ಸಾವಿರ ರೂ.ಗಳನ್ನು ಹಾಗೂ ಘಟಕ ವೆಚ್ಚಕ್ಕೆ 25ಸಾವಿರ ರೂಗಳನ್ನು ಸಬ್ಸಿಡಿ ಸೇರಿ ಸಾಲ ಕೊಡಲಾಗುವುದು.
ಮೈಕ್ರೋ ಸಾಲಯೋಜನೆ
ಮಹಿಳಾ ಸ್ವಸಾಯ ಸಂಘಗಳಿಗೆ ಅನಕ್ಷರಸ್ಥ ಕುಶಲಿಯಲ್ಲದ ಅಲ್ಪಸಂಖ್ಯಾತ ಮಹಿಳೆಯರ 10 ರಿಂದ 20 ಮಹಿಳೆಯರನ್ನು ಹೊಂದಿರುವ ಗುಂಪಿನ ಪ್ರತಿ ಸದಸ್ಯರಿಗೆ ಆರ್ಥಿಕ ಅಭಿವೃದ್ಧಿಗಾಗಿ 5000 ಸಹಾಯಧನ ಹಾಗೂ 5000 ಸಾಲವಾಗಿ ಒಟ್ಟು 10ಸಾವಿರ ರೂಗಳನ್ನು ನೀಡಲಾಗುತ್ತದೆ.
ಕೃಷಿ ಭೂಮಿ ಖರೀದಿ ಯೋಜನೆ
ಗ್ರಾಮೀಣ ಪ್ರದೇಶದಲ್ಲಿ ವಾಸವಿರುವ ಅಲ್ಪಸಂಖ್ಯಾತ ಭೂ ರಹಿತ ಕೃಷಿ ಕಾರ್ಮಿಕರಿಗೆ 2 ಎಕರೆ ಖುಷ್ಕಿ ಅಥವ 1 ಎಕರೆ ತರಿ ಭೂಮಿಯನ್ನು ನಿಗಮದಿಂದ 5ಕಿಮಿ ವ್ಯಾಪ್ತಿಯೊಳಗೆ ಖರೀದಿ ಮಾಡಿ ಕೊಡಲಾಗುತ್ತದೆ. ಇದರಲ್ಲಿ 50% ಅವದಿ ಸಾಲ 6% ಬಡ್ಡಿದರದೊಂದಿಗೆ ಮರುಪಾವತಿಸುವುದು. ಹಾಗೂ ಇನ್ನುಳಿದ 50% ಹಣವನ್ನು ಸಹಾಯಧನವನ್ನಾಗಿ ಪರಿಗಣಿಸಲಾಗುವುದು. ಭೂಮಿಯನ್ನು ಮಾರಾಟ ಮಾಡುವವರು ಹಿಂದುಳಿದ ವರ್ಗದವರಾಗಿರಬಾರದು ಮತ್ತು ಮಾರಾಟಮಾಡುವವರು ಲಿಖಿತವಾಗಿ ಅರ್ಜಿಯೊಂದಿಗೆ ಭೂಮಿಯ ದಾಖಲೆಗಳನ್ನು ಸಲ್ಲಿಸಬೇಕು.
ಗಂಗಾ ಕಲ್ಯಾಣ ಯೋಜನೆ
ಒಂದು ಎಕರೆ ಎರಡು ಗುಂಟೆಯಿಂದ ಐದು ಎಕರೆ ಖುಷ್ಕಿ ಭೂಮಿ ಹೊಂದಿದ ಸಣ್ಣ ಅಥವ ಅತಿ ಸಣ್ಣ ರೈತರು ಕೊಳವೆ ಭಾವಿ ಕೊರೆಸಲು 3.50 ಲಕ್ಷ ಸಹಾಯಧನ ಬಯಸಿದಲ್ಲಿ 50,000 ಸಾಲವನ್ನು ಒದಗಿಸಲಾಗುತ್ತದೆ.
ಮನೆ ಮಳಿಗೆ ಯೋಜನೆ
ದುರ್ಬಲ ಹಾಗೂ ವಿಶೇಷ ಫಲಾನುಭವಿಗಳಿಗೆ 5ಲಕ್ಷ ರೂಗಳ ಸಾಲ ಸೌಲಭ್ಯ ಕೊಡುವ ಯೋಜನೆ ಇದಾಗಿದೆ. ಕೋಮುಗಲಭೆ, ಪರಿಸರ ವಿಕೋಪ, ಸಂದರ್ಭದಲ್ಲಿ ತೊಂದರೆಗೊಳಗಾದವರು, ಸನ್ನಡತೆ ಮೇಲೆ ಬಿಡುಗಡೆಯಾದ ಕೈದಿಗಳು ಹಾಗೂ ಇನ್ನಿತರೆ ಪ್ರಕರಣಗಳಲ್ಲಿ ಬಂಧಿಯಾಗಿ ಆರೋಪ ಸಾಭೀತಾಗದೆ ಬಿಡುಗಡೆಯಾದ ನಿರಪರಾಧಿಗಳಿಗೆ ಜೀವನೋಪಾಯ ಕಲ್ಪಿಸುವ ಯೋಜನೆ ಇದಾಗಿದೆ.
ಪಶು ಸಂಗೋಪನೆ
ಹೈನುಗಾರಿಕೆ, ಕೋಳಿಸಾಕಣಿಕೆ, ಕುರಿ ಸಾಕಾಣಿಕೆಗೆ ಉತ್ತೇಜನ ನೀಡುವ ಸಲುವಾಗಿ 50% ದಷ್ಟು ಸಹಾಯಧನ ಸೇರಿ 40ಸಾವಿರ ರೂಗಳನ್ನು ನೀಡುವ ಯೋಜನೆ ಇದಾಗಿದೆ. ಟ್ಯಾಕ್ಸಿ / ಗೂಡ್ಸ್ ಖರೀದಿ ಯೋಜನೆ: ಟ್ಯಾಕ್ಸಿ ಹಾಗೂ ಗೂಡ್ಸ್ ವಾಹನಗಳನ್ನು ಖರಿದಿಸಲು 3ಲಕ್ಷರೂಗಳ ಸಹಾಯಧನ ನೀಡುವ ಯೋಜನೆ ಇದಾಗಿದೆ.
ಪ್ರವಾಸಿ ಲೋನ್ ಯೋಜನೆ
ಕೊಲ್ಲಿ ರಾಷ್ಟ್ರಗಳಿಂದ ಉದ್ಯೋಗ ವಂಚಿತರಾಗಿ ಎಕ್ಸಿಟ್ ಮುದ್ರೆಯೊಂದಿಗೆ ಹಿಂದಿರುಗಿದವರಿಗೆ ಸ್ವಯಂ ಉದ್ಯೋಗ್ಯ ಕಲ್ಪಿಸುವ ಯೋಜನೆ ಇದಾಗಿದೆ.
ಇದರೊಂದಿಗೆ ವೃತ್ತಿ ಪ್ರೋತ್ಸಾಹ, ಕೃಷಿ ಆಧುನಿಕ ಯಂತ್ರೋಪಕರಣ ಖರೀದಿ, ಶೈಕ್ಷಣಿಕ ಸಾಲ ನೇರ ಅವಧಿ ಸಾಲ ಹಾಗೂ ಆಟೋಮೊಬೈಲ್ಸ್ ಸರ್ವಿಸ್ ಹಾಗೂ ತರಬೇತಿ ಸಾಲ ಯೋಜನೆಗಳು ಸೇರಿವೆ.
ಅರ್ಹ ಅಭ್ಯರ್ಥಿಗಳು ನಿಗಧಿತ ನಮೂನೆಯ ಅರ್ಜಿಯನ್ನು ನಿಗಮದ ಅಂತರ್ಜಾಲತಾಣ WWW.Kmdc.kar.nic.in/loan/login.aspx ಮೂಲಕ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಜುಲೈ 31 ರೊಳಗಾಗಿ
ಜಿಲ್ಲಾ ವ್ಯವಸ್ಥಾಪಕರು, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ನಂಜಪ್ಪ ಆಸ್ಪತ್ರೆ ಮುಂಭಾಗ ರಸ್ತೆ, ಅಚ್ಯುತ್ರಾವ್ ಲೇಔಟ್, 4ನೇ ತಿರುವು, ಶಿವಮೊಗ್ಗ ಈ ಕಛೇರಿಗೆ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು. ವಿವರಗಳಿಗಾಗಿ 08182-228262ನ್ನು ಸಂಪರ್ಕಿಸಬಹುದಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9880346243

ದಿನದ ಸುದ್ದಿ
ಡಿ ಆರ್ ಆರ್ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ‘ಶೈಕ್ಷಣಿಕ ಪೀಠಿಕೆ ಕಾರ್ಯಕ್ರಮ’
ಸುದ್ದಿದಿನ,ದಾವಣಗೆರೆ: ನಗರದ ಡಿ ಆರ್ ಆರ್ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಪ್ರಥಮ ವರ್ಷದ ಹಾಗೂ ಲ್ಯಾಟರಲ್ ಎಂಟ್ರಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪೀಠಿಕೆ ಕಾರ್ಯಕ್ರಮವನ್ನು ಪ್ರಾಂಶುಪಾಲರಾದ ರಶ್ಮಿ . ಸಿ. ಹೆಚ್ ಅವರು ಉದ್ಘಾಟಿಸಿದರು.
ಸನಾವುಲ್ಲಾ ನವಿಲೇಹಾಳು ಅವರು ಉಪನ್ಯಾಸ ಮಾಡಿ ಹೊಸ ತಲೆಮಾರಿನವರು ಸಮಾಜಿಕ ಜಾಲತಾಣಗಳಲ್ಲಿ ಗೇಮ್ , ರೀಲ್ಸ್ ಇತರೆ ವಿಷಯಗಳಲ್ಲಿ ಮುಳುಗಿ ಬಿಕ್ಕಟ್ಟಿಗೆ ಸಿಲುಕಿದ್ದಾರೆ. ಶಿಕ್ಷಣ ಪಡೆದು ಉತ್ತಮ ವ್ಯಕ್ತಿತ್ವ ಕಟ್ಟಿಕೊಳ್ಳಬೇಕು. ತ್ಯಾಗ ಮತ್ತು ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಕರೆಕೊಟ್ಟರು.
ಉಪಸ್ಥಿತರಿದ್ದ ಕಾಲೇಜಿನ ಕುಲಸಚಿವರಾದ ಶ್ರೀ ಜಗದೀಶ್ ಹೆಚ್ ಅವರು ಮಾತನಾಡಿ ವಿದ್ಯಾರ್ಥಿಗಳು ತಮಗೆ ಎದುರಾಗುವ ಸಮಸ್ಯೆಗಳನ್ನು ಮೆಟ್ಟಿನಿಂತು ಶಿಕ್ಷಣಕ್ಕೆ ಮೊದಲ ಆದ್ಯತೆ ಕೊಡಬೇಕು ಎಂದರು. ಸಿಸಿಟೆಕ್ ಮ್ಯಾನೇಜರ್ ಆದ ಶ್ರೀ ಶಿವಕುಮಾರ ಸ್ವಾಮಿ ಎಸ್.ಹೆಚ್. ಸಂಯೋಜಕರಾದ ಶ್ರೀ ಮತಿ ಆಸೀಯಾ ಬಾನು ಬಿ. ಪ್ರಾಸ್ಥಾವಿಕವಾಗಿ ಮಾತನಾಡಿದರು ಹಾಗೂ ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
ವಿದ್ಯಾರ್ಥಿನಿ ಬೃಂದ ಕಾರ್ಯಕ್ರಮ ನಿರೂಪಿಸಿದರು,
ವೈಷ್ಣವಿ, ಲಾವಣ್ಯ, ಭಾವನ ಪ್ರಾರ್ಥಿಸಿದರು, ಉಪನ್ಯಾಸಕಿ ಪ್ರಿಯಾಂಕ ಟಿ ಎಸ್ ವಂದಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ
ಸುದ್ದಿದಿನ ಡೆಸ್ಕ್:ಬೆಂಗಳೂರಿನಲ್ಲಿ ಪ್ರೀತಿಯೊಂದು ರಕ್ತಸಿಕ್ತ ಅಂತ್ಯ ಕಂಡಿದೆ. ಮದುವೆಗೆ ನಿರಾಕರಿಸಿದ ಪ್ರೇಯಸಿಯನ್ನು ಪ್ರಿಯಕರನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ಪೈಪ್ಲೈನ್ ರಸ್ತೆಯಲ್ಲಿ ನಡೆದಿದೆ.
23 ವರ್ಷದ ಅಂಜಲಿ ಕೊಲೆಯಾದ ಯುವತಿಯಾಗಿದ್ದು, ರಾಜೀವ್ ಬಂಧಿತ ಆರೋಪಿ. ಕಳೆದ ಮೂರು-ನಾಲ್ಕು ವರ್ಷಗಳಿಂದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಈ ಹಿಂದೆ ಕೆಲಸ ಮಾಡುತ್ತಿದ್ದ ಸ್ಥಳದಲ್ಲೇ ಪರಿಚಯವಾಗಿ ಸ್ನೇಹ ಬೆಳೆದು, ಬಳಿಕ ಅದು ಪ್ರೀತಿಗೆ ತಿರುಗಿತ್ತು.
ಆದರೆ ರಾಜೀವ್ಗೆ ಕ್ರಿಮಿನಲ್ ಹಿನ್ನೆಲೆ ಇದ್ದ ಕಾರಣ ಅಂಜಲಿ ಕುಟುಂಬಸ್ಥರು ಈ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. ಹಲವು ಬಾರಿ ಕುಟುಂಬಸ್ಥರನ್ನು ಒಪ್ಪಿಸಲು ರಾಜೀವ್ ಪ್ರಯತ್ನಿಸಿದ್ದರೂ ಫಲಿಸಿರಲಿಲ್ಲ. ಇತ್ತೀಚೆಗೆ ಪೋಷಕರ ಒತ್ತಾಯಕ್ಕೆ ಮಣಿದ ಅಂಜಲಿ ರಾಜೀವ್ನಿಂದ ದೂರವಾಗಲು ಆರಂಭಿಸಿದ್ದಳು. ಇಂದು ಸಂಜೆ ಅಂಜಲಿಯನ್ನು ಊಟದ ನೆಪದಲ್ಲಿ ಕರೆಸಿಕೊಂಡಿದ್ದ ರಾಜೀವ್, ಮತ್ತೊಮ್ಮೆ ಮದುವೆ ವಿಚಾರ ಪ್ರಸ್ತಾಪಿಸಿದ್ದಾನೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು, ಕೋಪಗೊಂಡ ರಾಜೀವ್ ಚಾಕುವಿನಿಂದ ಅಂಜಲಿಯ ಕುತ್ತಿಗೆಗೆ ಇರಿದಿದ್ದಾನೆ.
ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಂಜಲಿಯನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃ*ತಪಟ್ಟಿದ್ದಾಳೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಪರಿಶೀಲನೆ ನಡೆಸಿ, ಕೆಲವೇ ನಿಮಿಷಗಳಲ್ಲಿ ಆರೋಪಿ ರಾಜೀವ್ನನ್ನು ಬಂಧಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್ ಆಹ್ವಾನ
ಸುದ್ದಿದಿನ ಡೆಸ್ಕ್:ಸುಪ್ರಿಯಾನ್ವಿ ಪ್ರೊಡಕ್ಷನ್ಸ್ ಸಂಸ್ಥೆಯಡಿ ಪ್ರಿಯಾ ಸುದೀಪ್ ನಿರ್ಮಿಸಿದ ಮೊದಲ ಚಿತ್ರ ‘ಮ್ಯಾಂಗೋ ಪಚ್ಚ’. ಸಂಚಿತ್ ಸಂಜೀವ್ ಅಭಿನಯದ ಈ ಚಿತ್ರ ಹೆಚ್ಚು ಸದ್ದು ಮಾಡಲಿಲ್ಲ.
ಈ ಸೋಲನ್ನು ಹಿಂದಕ್ಕೆ ಹಾಕಿ, ಪ್ರಿಯಾ ಸುದೀಪ್ ಇನ್ನಷ್ಟು ಹೊಸ ಕಥೆಗಳನ್ನು ತೆರೆಗೆ ತರುವುದಕ್ಕೆ, ಹೊಸ ಚಿತ್ರಗಳನ್ನು ನಿರ್ಮಿಸುವುದಕ್ಕೆ ಮುಂದಾಗಿದ್ದಾರೆ. ಕಥೆಗಾರರಿಗೆ ಆಹ್ವಾನ ನೀಡಿದ್ದಾರೆ. ‘ನಾವು ಹುಡುಕುತ್ತಿರುವುದು ಕೇವಲ ಕಥೆಗಳಲ್ಲ. ಮನಸ್ಸುಗಳನ್ನು ಮುಟ್ಟುವ ಭಾವನೆಗಳು, ಚಿಂತನೆಗೆ ಹಚ್ಚುವ ವಿಚಾರಗಳು ಮತ್ತು ಪರದೆಯ ಮೇಲೆ ಹೊಸ ಇತಿಹಾಸ ಬರೆಯುವ ಕಲ್ಪನೆಗಳು.
ನಿಮ್ಮ ಬಳಿ ಮೌಲಿಕ ಕಥೆ-ಚಿತ್ರಕಥೆ ಇದ್ದರೆ ಅಥವಾ ವಿಶಿಷ್ಟ ಕಥಾ ಪರಿಕಲ್ಪನೆ ಇದ್ದರೆ, ಅದನ್ನು ನಮ್ಮೊಂದಿಗೆ ಹಂಚಿಕೊಳ್ಳಿ. ತಮ್ಮದೇ ಆದ ವಿಶಿಷ್ಟ ದೃಷ್ಟಿಕೋನ ಮತ್ತು ಸೃಜನಾತ್ಮಕತೆಯನ್ನು ಹೊಂದಿರುವ ಲೇಖಕರು, ಕಥೆಗಾರರು ಮತ್ತು ಸೃಜನಶೀಲ ಮನಸ್ಸುಗಳನ್ನು ನಾವು ಸ್ವಾಗತಿಸುತ್ತೇವೆ. ಎಲ್ಲಾ ಪ್ರಕಾರಗಳು ಮತ್ತು ಎಲ್ಲಾ ಮಾದರಿಗಳಲ್ಲಿನ ಕಥಾ ಸಲ್ಲಿಕೆಗಳನ್ನು ನಾವು ಸ್ವಾಗತಿಸುತ್ತೇವೆ. ನಿಮ್ಮ ಕಥೆಯೇ ಮುಂದಿನ ದೊಡ್ಡ ಪ್ರಯಾಣದ ಆರಂಭವಾಗಬಹುದು’ ಎಂದು ಪ್ರಿಯಾ ಸುದೀಪ್, ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
ಜೊತೆಗೆ ಒಂದು ಮೊಬೈಲ್ ಸಂಖ್ಯೆಯನ್ನು ಸಹ ಹಂಚಿಕೊಂಡಿದ್ದಾರೆ. ಆದರೆ, ಕರೆ ಮಾಡುವಂತಿಲ್ಲ. ಚಾಟ್ ಮಾತ್ರ ಮಾಡಬಹುದು. ಕಥೆಗಳಿದ್ದರೆ 6663307434 ಸಂಖ್ಯೆಯನ್ನು ಸಂಪರ್ಕಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ2 days agoನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್ ಆಹ್ವಾನ
-
ದಿನದ ಸುದ್ದಿ2 days agoಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ
-
ದಿನದ ಸುದ್ದಿ2 days agoದುರಂತ | ಮೇಲ್ಛಾವಣಿ ಕುಸಿದು ಮೂವರು ಸಾವು
-
ದಿನದ ಸುದ್ದಿ2 days agoಪಲ್ಸ್ ಪೋಲಿಯೋದಿಂದ ಯಾವುದೇ ಮಗು ವಂಚಿತವಾಗದಂತೆ ಕ್ರಮವಹಿಸಿ: ಜಿ.ಪಂ. ಸಿಇಒ ಗಿತ್ತೆ ಮಾಧವ ವಿಠ್ಠಲರಾವ್
-
ದಿನದ ಸುದ್ದಿ10 hours agoಡಿ ಆರ್ ಆರ್ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ‘ಶೈಕ್ಷಣಿಕ ಪೀಠಿಕೆ ಕಾರ್ಯಕ್ರಮ’

