ದಿನದ ಸುದ್ದಿ
ಕೊಡಗು ಪ್ರವಾಹ : ಅತಿವೃಷ್ಟಿಯಿಂದ ಹಾನಿಯಾಗಿರುವ ಪ್ರದೇಶಗಳಿಗೆ ಕೇಂದ್ರ ತಂಡ ಭೇಟಿ
ಸುದ್ದಿದಿನ,ಮಡಿಕೇರಿ : ಅತಿವೃಷ್ಟಿಯಿಂದ ಹಾನಿಗೊಳಗಾದ ಹಟ್ಟಿಹೊಳೆ, ಕಾಂಡನಕೊಲ್ಲಿ, ಹಾಲೇರಿ, ಮುಕ್ಕೋಡ್ಲು, ಜಂಬೂರು ಮತ್ತಿತರ ಗ್ರಾಮಗಳಿಗೆ ಕೇಂದ್ರ ತಂಡದ ಅಧಿಕಾರಿಗಳು ಬುಧವಾರ ಭೇಟಿ ನೀಡಿ ವೀಕ್ಷಣೆ ಮಾಡಿದರು.
ಕೇಂದ್ರ ಅಧ್ಯಯನ ತಂಡದ ಪ್ರಮುಖರಾದ ಕೇಂದ್ರ ಗೃಹ ಇಲಾಖೆಯ ಜಂಟಿ ಕಾರ್ಯದರ್ಶಿ ಅನಿಲ್ ಮಲ್ಲಿಕ್, ಜಲ ಸಂಪನ್ಮೂಲ ಇಲಾಖೆಯ ಮುಖ್ಯ ಅಧೀಕ್ಷಕ ಎಂಜಿನಿಯರ್ ಜಿತೇಂದ್ರ ಪಾನ್ವರ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಪೊನ್ನುಸ್ವಾಮಿ, ಅವರು ಹಾನಿಯಾಗಿರುವ ಪ್ರದೇಶಗಳನ್ನು ವೀಕ್ಷಿಸಿದರು.
ಸಂಸದರಾದ ಪ್ರತಾಪ್ ಸಿಂಹ ಅವರು ಮಾದಾಪುರ ಬಳಿ ಕುಸಿದಿರುವ ರಸ್ತೆ, ಹಟ್ಟಿಹೊಳೆ ಬಳಿ ಚಿತ್ರ ಸುಬ್ಬಯ್ಯ ಅವರ ಮನೆ ಕೊಚ್ಚಿಕೊಂಡು ಹೋಗಿರುವುದು, ಭೂಕುಸಿತವಾಗಿರುವುದು, ಬೆಳೆ ಹಾನಿಯಾಗಿರುವುದು ಹಾಗೂ ಮುಕ್ಕೋಡ್ಲು ಗ್ರಾಮದ ಬಳಿ ಭೂಕುಸಿತ ಉಂಟಾಗಿರುವ ಬಗ್ಗೆ ಅವರು ಮಾಹಿತಿ ನೀಡಿದರು.
ಶಾಸಕರಾದ ಕೆ.ಜಿ.ಬೋಪಯ್ಯ ಮತ್ತು ಎಂ.ಪಿ.ಅಪ್ಪಚ್ಚು ರಂಜನ್ ಅವರು ಭೂಕುಸಿತ ಹಾಗೂ ಪ್ರವಾಹದಿಂದ ಸಾಕಷ್ಟು ಪ್ರಮಾಣದಲ್ಲಿ ಆಸ್ತಿ-ಪಾಸ್ತಿ ನಷ್ಟ ಉಂಟಾಗಿದ್ದು, ಬೆಳೆ ಹಾನಿಯಾಗಿದೆ, ರಸ್ತೆ ಕೊಚ್ಚಿಕೊಂಡು ಹೋಗಿವೆ. ಇದರಿಂದ ಸಾರಿಗೆ ಸಂಪರ್ಕವೇ ಕಡಿತಗೊಂಡಿದೆ ಎಂದು ಅವರು ತಿಳಿಸಿದರು.
ಅತಿವೃಷ್ಟಿಯಿಂದ ಹಾನಿಯಾಗಿರುವ ಪ್ರದೇಶಗಳ ವೀಕ್ಷಣೆಗೂ ಮೊದಲು ಹಾರಂಗಿ ಜಲಾಶಯದ ಅತಿಥಿ ಗೃಹದಲ್ಲಿ ಪ್ರಕೃತಿ ವಿಕೋಪದಿಂದ ಉಂಟಾಗಿರುವ ಹಾನಿ ಬಗ್ಗೆ ಜಿಲ್ಲಾಧಿಕಾರಿ ಪಿ.ಐ ಶ್ರೀವಿದ್ಯಾ ಅವರು ಮಾಹಿತಿ ನೀಡಿದರು. ಜಿ.ಪಂ ಸಿಇಒ ಪ್ರಶಾಂತ್ ಕುಮಾರ್ ಮಿಶ್ರಾ, ವಿಶೇಷ ಹೆಚ್ಚುವರಿ ಜಿಲ್ಲಾಧಿಕಾರಿ ಜಗದೀಶ್, ನಾನಾ ಇಲಾಖೆಯ ಅಧಿಕಾರಿಗಳು ಇದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401