Connect with us

ದಿನದ ಸುದ್ದಿ

ಕುಡಿಯುವ ನೀರಿನ ಅವಶ್ಯಕತೆ ಹಾಗೂ ನೈಜ ಪರಿಸರವಾಗಿ ಉಳಿಸಲು ಕುಂದವಾಡ ಕೆರೆ ಅಭಿವೃದ್ಧಿ : ಸಂಸದ ಜಿ.ಎಂ. ಸಿದ್ದೇಶ್ವರ

Published

on

ಸುದ್ದಿದಿನ,ದಾವಣಗೆರೆ : ಕುಂದವಾಡ ಕೆರೆಯು ದಾವಣಗೆರೆ ನಗರದ ಕುಡಿಯುವ ನೀರಿನ ಪ್ರಮುಖ ಸಂಗ್ರಹಗಾರವಾಗಿದ್ದು, ಸ್ಮಾರ್ಟ್ ಸಿಟಿ ಯೋಜನೆಯಡಿ ಜನರಿಗೆ ಅಗತ್ಯ ಕುಡಿಯುವ ನೀರು ಪೂರೈಸಲು ಹಾಗೂ ಕೆರೆಯ ಸುತ್ತಮುತ್ತಲ ಪ್ರದೇಶದಲ್ಲಿ ಪರಿಸರವನ್ನು ಜೀವವೈವಿಧ್ಯಗಳ ವಿಕಸನಕ್ಕೆ ಅನುಕೂಲವಾಗುವಂತೆ ನೈಜ ರೀತಿಯಲ್ಲಿ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ. ವಾಸ್ತವಾಂಶಗಳನ್ನು ಸಾರ್ವಜನಿಕರಿಗೆ ತಲುಪುವ ದಿಸೆಯಲ್ಲಿ ಜನಜಾಗೃತಿ ಮೂಡಿಸುವಂತೆ ಸಂಸದ ಜಿ.ಎಂ. ಸಿದ್ದೇಶ್ವರ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ದಾವಣಗೆರೆ ಸ್ಮಾರ್ಟ್ ಸಿಟಿ ಯೋಜನೆಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಲಾಗಿದ್ದ ಸಿಟಿ ಲೆವೆಲ್ ಅಡೈಸರಿ ಫೋರಂ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಸ್ಮಾರ್ಟ್ ಸಿಟಿ ಯೋಜನೆಯ ವ್ಯವಸ್ಥಾಪಕ ನಿರ್ದೇಶಕ ರವೀಂದ್ರ ಮಲ್ಲಾಪುರ ಅವರು ಕೆರೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಮಾಹಿತಿ ನೀಡಿ, ಕೆರೆಯು ದಾವಣಗೆರೆ ನಗರದ ಕುಡಿಯುವ ನೀರಿನ ಪ್ರಮುಖ ಸಂಗ್ರಹಗಾರವಾಗಿದ್ದು, ಬೇಸಿಗೆಯಲ್ಲಿ ಕೆರೆ ಏರಿ ಮೇಲಿನ ಕಳೆ, ಗಿಡಗಂಟೆ ಇತ್ಯಾದಿಗಳ ಕೊಳೆಯುವಿಕೆಯಿಂದ ನೀರು ಹಸಿರುಗಟ್ಟಿ ಕುಡಿಯಲು ಯೋಗವಾಗದ ರೀತಿ ಪರಿವರ್ತನೆಯಾಗುತ್ತದೆ, ನೀರು ಕಲುಷಿತಗೊಳ್ಳುವುದರಿಂದ ಕೆರೆಯಲ್ಲಿನ ಮೀನುಗಳು, ಜೀವವೈವಿಧ್ಯಗಳು ಸಾಯುತ್ತವೆ. ಇದನ್ನು ಈ ಹಿಂದೆಯೂ ಗಮನಿಸಲಾಗಿದೆ.

ಕೆರೆಯ ಏರಿಯಲ್ಲಿನ ನೀರು ಬಸಿಯುವಿಕೆ, ಹಾಳಾಗಿರುವ ಏರಿ ಮೇಲಿನ ಕಲ್ಲುಹೊದಿಕೆ ಮುಂತಾದ ಸಮಸ್ಯೆಗಳನ್ನು ಶಾಶ್ವತವಾಗಿ ಪರಿಹರಿಸಲು ಕೆರೆ ಅಭಿವೃದ್ಧಿ ಕೈಗೆತ್ತಿಕೊಳ್ಳಲಾಗಿದ್ದು, ಒಂದೂವರೆ ವರ್ಷದ ಹಿಂದೆಯೇ ಕಾಮಗಾರಿಗೆ ಕಾರ್ಯಾದೇಶ ನೀಡಲಾಗಿದೆ. ಸಾರ್ವಜನಿಕರ ಅನುಕೂಲಕ್ಕೆ ಏರಿಯ ಮೇಲೆ ವಿದ್ಯುತ್ ದೀಪ ಅಳವಡಿಕೆ, ಹೂವಿನ ಗಿಡಗಳನ್ನು ಹಾಕುವುದು, ಕಲ್ಲು ಬೆಂಚು ಅಳವಡಿಕೆ, ವಾಕಿಂಗ್ ಪಾತ್, ಸೈಕಲ್ ಟ್ರಾಕ್ ನಿರ್ಮಾಣ ಮಾಡಲಾಗುತ್ತಿದೆ. ಕೆರೆಯ ಒಳಗೆ ಸಾರ್ವಜನಿಕರು ಹಾಗೂ ಪ್ರಾಣಿಗಳು ಹೋಗದಂತೆ ಚೈನ್ ಲಿಂಕ್ ತಂತಿ ಬೇಲಿ ಅಳವಡಿಸಲು ಉದ್ದೇಶಿಸಲಾಗಿದೆ.

ಈ ಕೆರೆಗೆ ಯಾವುದೇ ಮಳೆ ನೀರಿನ ಒಳಹರಿವು ಇಲ್ಲದಿರುವುದರಿಂದ, ತುಂಗಭದ್ರಾ ನದಿ ಮತ್ತು ಭದ್ರಾ ಕಾಉವೆ ಮೂಲಕ ಹರಿಸಿ ತುಂಬಿಸಲಾಗುತ್ತಿದೆ. ಸಾರ್ವಜನಿಕರಿಗೆ ಕುಡಿಯುವ ನೀರು ಪೂರೈಕೆಯ ವಿಷಯವಾಗಿರುವುದರಿಂದ, ಕೆರೆಯಲ್ಲಿ ಸ್ವಚ್ಛ ಪರಿಸರ ಹಾಗೂ ನೈರ್ಮಲ್ಯ ಕಾಪಾಡಿಕೊಳ್ಳುವುದು ಅತ್ಯಂತ ಅಗತ್ಯವಾಗಿದೆ. ಸತ್ಯಾಂಶಗಳ ಬಗ್ಗೆ ಜನಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ಸಂಸದ ಜಿ.ಎಂ. ಸಿದ್ದೇಶ್ವರ ಅವರು, ವಾಸ್ತವ ಸಂಗತಿಗಳನ್ನು ಅರಿಯದೆ, ಕುಂದವಾಡ ಕೆರೆ ಅಭಿವೃದ್ಧಿ ಯೋಜನೆಯು ಪರಿಸರ ವಿರೋಧಿಯೆಂದು ಕೆಲವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಕುಂದವಾಡ ಕೆರೆ ಪ್ರಸ್ತುತ ಕೇವಲ ಕೆರೆ ಮಾತ್ರವಲ್ಲದೆ, ನಗರಕ್ಕೆ ಕುಡಿಯುವ ನೀರಿಗೆ ಆಧಾರವಾಗಿರುವ ಪ್ರಮುಖ ನೀರು ಸಂಗ್ರಹಗಾರವಾಗಿದೆ. ಅಧಿಕಾರಿಗಳು ಕುಂದವಾಡ ಕೆರೆ ಅಭಿವೃದ್ಧಿಯ ಉದ್ದೇಶ ಕುರಿತ ವಾಸ್ತವ ಅಂಶಗಳನ್ನು ಸರಿಯಾದ ರೀತಿಯಲ್ಲಿ ಪ್ರಚುರಪಡಿಸಿದಲ್ಲಿ, ಯೋಜನೆ ಅಭಿವೃದ್ಧಿ ಕುರಿತಂತೆ ಇರುವ ತಪ್ಪು ಅಭಿಪ್ರಾಯಗಳು ದೂರವಾಗಲು ಸಾಧ್ಯ, ಈ ನಿಟ್ಟಿನಲ್ಲಿ ಸ್ಮಾರ್ಟ್ ಸಿಟಿ ಅಧಿಕಾರಿಗಳು ಜನಜಾಗೃತಿ ಮೂಡಿಸಿ ಎಂದು ಸೂಚನೆ ನೀಡಿದರು.

ಚರಂಡಿ, ರಾಜಕಾಲುವೆ ನಿರ್ಮಾಣಕ್ಕೆ ಅಡ್ಡಿ

ನಗರದಲ್ಲಿ ಮಳೆ ಹೆಚ್ಚು ಬಂದಾಗ, ನೀರು ಸರಾಗವಾಗಿ ಹರಿಯದೆ, ತಗ್ಗು ಪ್ರದೇಶಗಳಿಗೆ ನುಗ್ಗಿ, ತೊಂದರೆ ಉಂಟಾಗುವುದನ್ನು ತಪ್ಪಿಸಲು ರಾಜ ಕಾಲುವೆ ಹಾಗೂ ಚರಂಡಿಗಳ ನಿರ್ಮಾಣವಾಗುತ್ತಿದ್ದು ಶೇ. 50 ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ನಗರದಲ್ಲಿನ ರಾಜ ಕಾಲುವೆ (ಮುಖ್ಯ ಚರಂಡಿ) ಮಾರ್ಗಕ್ಕೆ ಹಲವೆಡೆ ಅನುಮೋದಿತ ಬಡಾವಣೆಯಲ್ಲಿ ಸೂಕ್ತ ಸ್ಥಳಾವಕಾಶ ಇಲ್ಲದಿರುವುದರಿಂದ ತೊಂದರೆ ಉಂಟಾಗಿದೆ.

ಅಲ್ಲದೆ ನಗರದ ಹಳೆಯ ಭಾಗದಲ್ಲಿ ಚರಂಡಿ ಹಾಗೂ ರಸ್ತೆಯಲ್ಲಿ ನೀರಿನ ತೊಟ್ಟಿ, ಶೌಚಾಲಯ, ಮೆಟ್ಟಿಲುಗಳು, ಸ್ಟೇರ್‍ಕೇಸ್, ಸ್ಟೋರ್‍ರೂಂ ಇತ್ಯಾದಿಗಳನ್ನು ಅನಧಿಕೃತವಾಗಿ ಕಟ್ಟಿಕೊಂಡಿರುವುದನ್ನು ಗಮನಿಸಲಾಗಿದ್ದು, ಕಾಮಗಾರಿಗಳಿಗೆ ತೀವ್ರ ತೊಂದರೆಯಾಗಿದೆ. ಮಹಾನಗರಪಾಲಿಕೆಯಿಂದ ತೆರವು ಮಾಡಿಕೊಟ್ಟಲ್ಲಿ, ಚರಂಡಿ ನಿರ್ಮಾಣ ಕಾರ್ಯ ಪೂರ್ಣಗೊಳಿಸಲಾಗುವುದು ಎಂದು ರವೀಂದ್ರ ಮಲ್ಲಾಪುರ ಹೇಳಿದರು.

ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ಪ್ರತಿಕ್ರಿಯಿಸಿ, ಮಹಾನಗರಪಾಲಿಕೆ ಆಯುಕ್ತರು ಕೂಡಲೆ ಅಂತಹ ಒತ್ತುವರಿಯನ್ನು ತೆರವುಗೊಳಿಸಿ, ಚರಂಡಿ ನಿರ್ಮಾಣ ಕಾರ್ಯಕ್ಕೆ ಅನುವು ಮಾಡಿಕೊಡಬೇಕು. ಇದರಲ್ಲಿ ಯಾವುದೇ ಪ್ರಭಾವಗಳಿಗೆ ಮಣಿಯದೆ, ತುರ್ತಾಗಿ ತೆರವುಗೊಳಿಸುವಂತೆ ನಿರ್ದೇಶನ ನೀಡಿದರು.

ಇ-ಟಾಯ್ಲೆಟ್ ಸಮರ್ಪಕ ನಿರ್ವಹಣೆ

ನಗರ ವ್ಯಾಪ್ತಿಯಲ್ಲಿ ಈಗಾಗಲೆ 1 ಮತ್ತು 2 ನೇ ಹಂತದಲ್ಲಿ ಒಟ್ಟು 29 ಇ-ಟಾಯ್ಲೆಟ್‍ಗಳನ್ನು ಸ್ಮಾರ್ಟ್ ಸಿಟಿ ಯೋಜನೆಯಡಿ ನಿರ್ಮಾಣವಾಗಿದ್ದು, ಇನ್ನೂ 17 ನಿರ್ಮಾಣವಾಗಬೇಕಿದೆ. ಆದರೆ ಹಲವೆಡೆ ಇ-ಟಾಯ್ಲೆಟ್‍ಗಳ ಅಸಮರ್ಪಕ ನಿರ್ವಹಣೆಯಿಂದ ಹಾಳಾಗಿದ್ದು, ದೂರುಗಳು ಕೇಳಿಬರುತ್ತಿವೆ ಎಂದು ಸಂಸದರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಸ್ಮಾರ್ಟ್ ಸಿಟಿ ಯೋಜನೆಯ ರವೀಂದ್ರ ಮಲ್ಲಾಪುರ ಉತ್ತರಿಸಿ, ಇ-ಟಾಯ್ಲೆಟ್‍ಗಳನ್ನು ಸಾರ್ವಜನಿಕರ ಅನುಕೂಲಕ್ಕಾಗಿ ಸದುದ್ದೇಶದಿಂದ ನಿರ್ಮಿಸಿದ್ದು, ಕೆಲವು ಕಿಡಿಗೇಡಿಗಳು ಕಾಯಿನ್ ಬಾಕ್ಸ್‍ನಲ್ಲಿ ಕಬ್ಬಿಣದ ತುಂಡು, ಕಟ್ಟಿಗೆ ತುಂಡುಗಳನ್ನು ಹಾಕಿ ಹಾಳು ಮಾಡುತ್ತಿದ್ದಾರೆ. ನಗರದಲ್ಲಿ ಎಲ್ಲ 46 ಇ-ಟಾಯ್ಲೆಟ್‍ಗಳನ್ನು ನಿರ್ಮಾಣ ಮಾಡಿ, ನಿರ್ವಹಣೆಗಾಗಿ ಮಹಾನಗರಪಾಲಿಕೆಗೆ ಹಸ್ತಾಂತರ ಮಾಡಲಾಗುವುದು.

ರಸ್ತೆ ಸುರಕ್ಷತೆಗಾಗಿ ನಗರದಲ್ಲಿ ಹಾಕಿರುವ ಫ್ಲೆಕ್ಸಿಬಲ್ ಮೀಡಿಯನ್, ಮಾರ್ಕರ್, ಸೋಲಾರ್ ಬ್ಲಿಂಕರ್ಸ್‍ಗಳನ್ನು ದುಷ್ಕರ್ಮಿಗಳು ಕತ್ತರಿಸಿ, ಕಳುವು ಮಾಡಿಕೊಂಡು, ತಮ್ಮ ವಾಹನಗಳಿಗೆ ಅಳವಡಿಸಿರುವುದು ಕಂಡುಬಂದಿದ್ದು, ಅಂತಹ ವಾಹನಗಳ ಫೋಟೋ ಸಹಿತ ನಗರದ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಪೊಲೀಸ್ ಅಧಿಕಾರಿಗಳು ಇನ್ನೂ ಕ್ರಮ ಕೈಗೊಂಡಿಲ್ಲ ಎಂದರು.

ಸಭೆಯ ಮಧ್ಯದಲ್ಲಿಯೇ ಪೊಲೀಸ್ ಅಧಿಕಾರಿಗಳಿಗೆ ಕರೆ ಮಾಡಿ ಮಾತನಾಡಿದ ಸಂಸದರು, ಇದುವರೆಗೂ ಕ್ರಮ ಕೈಗೊಳ್ಳದ ಪೊಲೀಸ್ ಅಧಿಕಾರಿಗಳ ಕಾರ್ಯವೈಖರಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಕೂಡಲೆ ಅಂತಹ ವಾಹನಗಳನ್ನು ವಶಕ್ಕೆ ಪಡೆದು ಕಾನೂನು ರೀತ್ಯ ಕ್ರಮ ಜರುಗಿಸುವಂತೆ ತಾಕೀತು ಮಾಡಿದರು.

ಸಭೆಯಲ್ಲಿ ಶಾಸಕ ಎಸ್.ಎ. ರವೀಂದ್ರನಾಥ್, ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಮಹಾನಗರಪಾಲಿಕೆ ಮಹಾಪೌರ ಅಜಯ್‍ಕುಮಾರ್, ಆಯುಕ್ತ ವಿಶ್ವನಾಥ ಮುದಜ್ಜಿ ಸೇರಿದಂತೆ ಸಿಟಿ ಲೆವೆಲ್ ಅಡೈಸರಿ ಫೋರಂ ಸದಸ್ಯರು, ಸ್ಮಾರ್ಟ್ ಸಿಟಿ ಯೋಜನೆಯ ಅಧಿಕಾರಿಗಳು, ಇಂಜಿನಿಯರ್‍ಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ನಾಳೆ ʼನಿರಾಕಾರ ವಿಶ್ವಕರ್ಮʼ ಕೃತಿ ಬಿಡುಗಡೆ

Published

on

ಸುದ್ದಿದಿನ,ಬೆಂಗಳೂರು:ಕಾವ್ಯಸ್ಪಂದನ ಪ್ರಕಾಶನವು ಪ್ರಕಟಿಸಿರುವ ಪತ್ರಕರ್ತ, ಲೇಖಕ ಚಂದ್ರಶೇಖರ ಗಂಧನಹಳ್ಳಿ ಅವರ ʼನಿರಾಕಾರ ವಿಶ್ವಕರ್ಮʼ ಕೃತಿಯು ಸೆಪ್ಟೆಂಬರ್‌ 17ರಂದು ಬಿಡುಗಡೆಯಾಗಲಿದೆ. ಅಂದು ಬೆಳಗ್ಗೆ 10.30ಕ್ಕೆ ಮೈಸೂರು ಜಿಲ್ಲೆ, ಕೆ.ಆರ್.ನಗರ ತಾಲೂಕು ಆಡಳಿತ ಕಚೇರಿಯ ಸಭಾಂಗಣದಲ್ಲಿ ತಾಲೂಕು ಆಡಳಿತದ ಆಶ್ರಯ, ತಾಲೂಕು ವಿಶ್ವಕರ್ಮ ಸೇವಾ ಸಮಾಜ ಹಾಗೂ ತಾಲೂಕು ವಿಶ್ವಕರ್ಮ ಸಂಘದ ಜಂಟಿ ವತಿಯಿಂದ ಆಯೋಜಿಸಿರುವ ‘ವಿಶ್ವಕರ್ಮ ಜಯಂತಿ’ ಕಾರ್ಯಕ್ರಮದಲ್ಲಿ ಶಾಸಕರಾದ ಡಿ. ರವಿಶಂಕರ್‌ ಅವರು ಕೃತಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಹಶೀಲ್ದಾರ್‌ ಜಿ. ಸುರೇಂದ್ರ ಮೂರ್ತಿ ಅವರು ವಹಿಸಲಿದ್ದಾರೆ. ತಾಲೂಕು ವಿಶ್ವಕರ್ಮ ಸೇವಾ ಸಮಾಜದ ಅಧ್ಯಕ್ಷ ರೇವಣ್ಣ, ತಾಲೂಕು ವಿಶ್ವಕರ್ಮ ಸಂಘದ ಅಧ್ಯಕ್ಷ ವೇಣುಗೋಪಾಲ್‌ ಎನ್., ಪದಾಧಿಕಾರಿಗಳಾದ ಈಶ್ವರಾಚಾರ್‌, ಚೇತನ್‌ ಮೂರ್ತಿ ಸೇರಿದಂತೆ ವಿಶ್ವಕರ್ಮ ಸಮುದಾಯದ ಮುಖಂಡರು ಹಾಗೂ ತಾಲೂಕು ಆಡಳಿತದ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಶ್ರೀ ಕಾಳಿಕಾಂಬಾ ದೇವಾಲಯದಲ್ಲಿ ವಿಶ್ವಕರ್ಮ ಜಯಂತಿ ಪ್ರಯುಕ್ತ ವಿಶೇಷ ಪೂಜೆ ನೆರವೇರಲಿದ್ದು, ಬಳಿಕ ಅಲ್ಲಿಂದ ತಾಲೂಕು ಆಡಳಿತ ಕಚೇರಿಯವರೆಗೆ ಮೆರವಣಿಗೆ ನಡೆಯಲಿದೆ.

ವಿಶೇಷವೆಂದರೆ, ಪ್ರಕಾಶಕರು ಹಾಗೂ ಆಯೋಜಕರ ಆಸಕ್ತಿಯ ಮೇರೆಗೆ ‘ನಿರಾಕಾರ ವಿಶ್ವಕರ್ಮ’ ಕೃತಿಯನ್ನು ತಿಂಗಳ ಅಂತರದಲ್ಲಿ ಮೂರು ಪ್ರತ್ಯೇಕ ಕಾರ್ಯಕ್ರಮಗಳಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ಸೆಪ್ಟೆಂಬರ್‌ 17ರಂದು ಕೆ.ಆರ್.ನಗರದಲ್ಲಿ ಕೃತಿ ಬಿಡುಗಡೆಯಾದರೆ, ಸೆಪ್ಟೆಂಬರ್‌ 20ರಂದು ಬೆಂಗಳೂರಿನ ತಾತಗುಣಿಯ ವಿಶ್ವಕರ್ಮ ನಗರದಲ್ಲಿ ಕರ್ನಾಟಕ ರಾಜ್ಯ ವಿಶ್ವಕರ್ಮ ಮಹಾಮಂಡಳಿಯ ವತಿಯಿಂದ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಕೃತಿ ಲೋಕಾರ್ಪಣೆಗೊಳ್ಳಲಿದೆ. ಹಾಗೆಯೇ, ನವೆಂಬರ್‌ 22ರಂದು ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಕಾವ್ಯಸ್ಪಂದನ ಪ್ರಕಾಶನ ಏರ್ಪಡಿಸಿರುವ ಕಾರ್ಯಕ್ರಮದಲ್ಲಿಯೂ ಈ ಕೃತಿ ಬಿಡುಗಡೆಯಾಗಲಿದೆ.

ಮಾನವ ನಾಗರಿಕತೆಯ ಇತಿಹಾಸವನ್ನು ತೆರೆದರೆ, ಅದರ ಪ್ರತಿಯೊಂದು ಪುಟದ ಹಿಂದೆಯೂ ಶ್ರಮಿಸಿದ ಅನಾಮಿಕ ಕೈಗಳು ಕಾಣಿಸುತ್ತವೆ. ಆ ಕೈಗಳು ಕಲ್ಲನ್ನು ಕೆತ್ತಿ ದೇವಸ್ಥಾನವಾಗಿಸಿವೆ, ಕಬ್ಬಿಣವನ್ನು ಬಡಿದು ಆಯುಧವಾಗಿಸಿವೆ, ಮರಕ್ಕೆ ರೂಪ ಕೊಟ್ಟು ಬಾಗಿಲಾಗಿಸಿವೆ, ಮಣ್ಣಿಗೆ ಜೀವ ತುಂಬಿ ಮಡಕೆಯಾಗಿಸಿವೆ; ಹಾಗೆಯೇ ಬಣ್ಣಗಳ ಮೂಲಕ ಅಚ್ಚಳಿಯದ ಭಾವನೆಗಳನ್ನು ಮೂಡಿಸಿವೆ. ಆ ಸೃಷ್ಟಿಶೀಲ ಕೈಗಳಿಗೆ ಬಹುಶಃ ಇತಿಹಾಸದ ಅಧಿಕೃತ ಪುಟಗಳಲ್ಲಿ, ರಾಜ-ಮಹಾರಾಜರ ಕಥೆಗಳ ನಡುವೆ ದೊಡ್ಡ ಅಕ್ಷರಗಳಲ್ಲಿ ಹೆಸರು ಸಿಕ್ಕಿಲ್ಲದಿರಬಹುದು. ಆದರೆ ಅವರು ನಿರ್ಮಿಸಿದ ಕಲೆ, ಶಿಲ್ಪ, ವಾಸ್ತು, ಉಪಕರಣ ಮತ್ತು ಸೌಂದರ್ಯವೇ ನಮ್ಮ ನಾಗರಿಕತೆಯ ಉಸಿರಾಗಿ, ಜೀವಂತ ಸಾಕ್ಷಿಗಳಾಗಿ ಇಂದಿಗೂ ಉಳಿದಿವೆ. ಅಂತಹ ಸೃಜನಶೀಲ ಕೈಗಳ ಸಮೂಹ ಸ್ಮೃತಿಯನ್ನು, ಪರಂಪರೆಯನ್ನು ಮತ್ತು ಇತಿಹಾಸವನ್ನು ಅರಿಯುವ ಅರ್ಥಪೂರ್ಣ ಪ್ರಯತ್ನವನ್ನು ನಿರಾಕಾರ ವಿಶ್ವಕರ್ಮ ಕೃತಿಯಲ್ಲಿ ಲೇಖಕರಾದ ಚಂದ್ರಶೇಖರ ಗಂಧನಹಳ್ಳಿ ಅವರು ಮಾಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!

Published

on

ಆಗಸ್ಟ್ 2023 ರಿಂದ ಜುಲೈ 2026 ರವರೆಗೆ ₹28,759 ಕೋಟಿ ಸಬ್ಸಿಡಿ ಬಿಡುಗಡೆ; ಪ್ರತಿ ತಿಂಗಳು 200 ಯೂನಿಟ್ ಉಚಿತ ವಿದ್ಯುತ್‌ನಿಂದ ಕೋಟ್ಯಂತರ ಕುಟುಂಬಗಳ ಆರ್ಥಿಕ ಸಬಲೀಕರಣ

ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ಸಹಕಾರ’ ಎಂಬ ಧ್ಯೇಯದೊಂದಿಗೆ ಆರಂಭವಾದ ಈ ಯೋಜನೆ ಇಂದು ಕೋಟ್ಯಂತರ ಕುಟುಂಬಗಳ ಬದುಕಿಗೆ ಬೆಳಕಾಗಿದೆ.

ಹೌದು! 2023ರ ಆಗಸ್ಟ್‌ನಲ್ಲಿ ಜಾರಿಗೆ ಬಂದ ಈ ಯೋಜನೆಯಡಿ ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ಪ್ರತಿ ತಿಂಗಳು 200 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮಾಸಿಕ ಬಜೆಟ್‌ಗೆ ದೊಡ್ಡ ಆಸರೆಯಾಗಿದೆ ಎಂದೇ ಹೇಳಬಹುದು.

http://Visit : www.suddidina.com

ಗೃಹಜ್ಯೋತಿ ಯೋಜನೆಯ ಸಾಧನೆಯ ಗಿರಿ: 

ಇಂಧನ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ರಾಜ್ಯದ್ಯಂತ ಬರೋಬ್ಬರಿ 1.65 ಕೋಟಿ. ಫಲಾನುಭವಿಗಳು ಕುಟುಂಬಗಳು ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದರೆ, ಸೇವಾಸಿಂಧು ಪೋರ್ಟಲ್‌ನಲ್ಲಿ ಒಟ್ಟು 1,76,69,368 ಜನರು ನೋಂದಾಯಿಸಿಕೊಂಡಿದ್ದರೆ. ಒಟ್ಟು 2,06,65,451 ಗೃಹಬಳಕೆ ವಿದ್ಯುತ್ ಗ್ರಾಹಕರಿದ್ದಾರೆ. ಅಂದರೆ ಶೇ.85ಕ್ಕಿಂತ ಹೆಚ್ಚು ಗ್ರಾಹಕರು ಈ ಯೋಜನೆಯಡಿ ನೋಂದಾಯಿಸಿಕೊಂಡು ಲಾಭ ಪಡೆಯುತ್ತಿದ್ದಾರೆ.

ಆರ್ಥಿಕವಾಗಿ ನೋಡುವುದಾದರೆ, 2023ರ ಆಗಸ್ಟ್‌ನಿಂದ 2026ರ ಜುಲೈ ವರೆಗೆ, ಕಳೆದ ಮೂರು ವರ್ಷಗಳಲ್ಲಿ ಸರ್ಕಾರವು ಫಲಾನುಭವಿಗಳಿಗೆ ಒಟ್ಟು ₹28,759.54 ಕೋಟಿ ರೂಪಾಯಿ ಸಬ್ಸಿಡಿ ಬಿಡುಗಡೆ ಮಾಡಿದೆ. ಇದು ಸರ್ಕಾರದ ಬದ್ಧತೆ ಮತ್ತು ಜನಪರ ಕಾಳಜಿಗೆ ಹಿಡಿದ ಕನ್ನಡಿಯಾಗಿದೆ.

ಕುಟುಂಬದ ಬಜೆಟ್‌ಗೆ ಆಸರೆ, ಉಜ್ವಲ ಭವಿಷ್ಯಕ್ಕೆ ಬುನಾದಿ:

ಪ್ರತಿ ತಿಂಗಳು 1000 ದಿಂದ 1500 ರೂಪಾಯಿಗಳವರೆಗೆ ವಿದ್ಯುತ್ ಬಿಲ್ ಕಟ್ಟುತ್ತಿದ್ದ ಸಾಮಾನ್ಯ ಕುಟುಂಬಗಳಿಗೆ ಈಗ ಆ ಹಣ ಸಂಪೂರ್ಣವಾಗಿ ಉಳಿತಾಯವಾಗುತ್ತಿದೆ. ಈ ಉಳಿತಾಯದ ಹಣವನ್ನು ಅವರು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಇತರ ಅಗತ್ಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ವಿಶೇಷವಾಗಿ ಗೃಹಿಣಿಯರಿಗೆ ಇದು ಆರ್ಥಿಕವಾಗಿ ದೊಡ್ಡ ನೆರವಾಗಿದೆ.

ಕೇವಲ ಉಚಿತ ವಿದ್ಯುತ್ ನೀಡುವುದಷ್ಟೇ ಅಲ್ಲ, ಜನರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದೇ ಈ ಯೋಜನೆಯ ಮುಖ್ಯ ಗುರಿಯಾಗಿದ್ದು, ರಾಜ್ಯದ ಜನರ ಜೀವನಮಟ್ಟ ಸುಧಾರಿಸಿದೆ. ಗೃಹ ಜ್ಯೋತಿ ಯೋಜನೆಯು ಕೇವಲ ಒಂದು ಯೋಜನೆಯಾಗಿ ಉಳಿಯದೆ, ಕರ್ನಾಟಕದ ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕುಟುಂಬಗಳನ್ನು ಈ ಯೋಜನೆಯಡಿ ತರಲು ಇಂಧನ ಇಲಾಖೆ ಕ್ರಮ ಕೈಗೊಳ್ಳುತ್ತಿದೆ.

Continue Reading

ದಿನದ ಸುದ್ದಿ

ರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!

Published

on

ಕರ್ನಾಟಕದ ವೈಟ್‌ಫೀಲ್ಡ್-ಬಂಗಾರಪೇಟೆ, ಹೊಸೂರು-ಓಮಲೂರು ಮಾರ್ಗ ಸೇರಿ 9 ರಾಜ್ಯಗಳ 1200 ಕಿ.ಮೀ ರೈಲು ಜಾಲ ವಿಸ್ತರಣೆಗೆ ಪ್ರಧಾನಿ ಮೋದಿ ಅಧ್ಯಕ್ಷತೆಯ ಸಂಪುಟ ಸಭೆಯಲ್ಲಿ ಅನುಮೋದನೆ

ಸುದ್ದಿದಿನ, ಹೊಸದಿಲ್ಲಿ: ದೇಶದ ರೈಲ್ವೆ ಮೂಲಸೌಕರ್ಯಕ್ಕೆ ಬೃಹತ್ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳ 20ಕ್ಕೂ ಹೆಚ್ಚು ಜಿಲ್ಲೆಗಳನ್ನು ಸಂಪರ್ಕಿಸುವ 20,000 ಕೋಟಿ ರೂಪಾಯಿಗೂ ಅಧಿಕ ಮೊತ್ತದ 8 ಬಹು ಟ್ರ್ಯಾಕಿಂಗ್ (Multi-Tracking) ರೈಲು ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ (ಸೆ.09) ನಡೆದ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಈ ಯೋಜನೆಗಳು ಪಿಎಂ-ಗತಿ ಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ ಅಡಿಯಲ್ಲಿ ಅನುಷ್ಠಾನಗೊಳ್ಳಲಿವೆ.

http://Visit : www.suddidina.com

ಈ ಯೋಜನೆಗಳಿಂದ ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವು ಬರೋಬ್ಬರಿ 1,200 ಕಿಲೋಮೀಟರ್‌ಗಳಷ್ಟು ವಿಸ್ತರಣೆಯಾಗಲಿದೆ. ಇದರಿಂದ 6,900ಕ್ಕೂ ಹೆಚ್ಚು ಗ್ರಾಮಗಳಿಗೆ ಸುಧಾರಿತ ಸಂಪರ್ಕ ಸಿಗಲಿದ್ದು, ರೈಲುಗಳ ಕಾರ್ಯಾಚರಣೆಯ ದಕ್ಷತೆ ಮತ್ತು ಸೇವಾ ವಿಶ್ವಾಸಾರ್ಹತೆ ಗಣನೀಯವಾಗಿ ಹೆಚ್ಚಾಗಲಿದೆ.

ಯಾವೆಲ್ಲ ಯೋಜನೆಗಳಿಗೆ ಅನುಮೋದನೆ?
ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದ ಪ್ರಮುಖ ಯೋಜನೆಗಳು ಹೀಗಿವೆ:

1. ಅರಾಕೋಣಂ-ರೇಣಿಗುಂಟಾ ಮತ್ತು ವೈಟ್‌ಫೀಲ್ಡ್-ಬಂಗಾರಪೇಟೆ ನಡುವೆ 3 ಮತ್ತು 4ನೇ ಮಾರ್ಗ: ಇದು ಕರ್ನಾಟಕ ಮತ್ತು ತಮಿಳುನಾಡು, ಆಂಧ್ರಪ್ರದೇಶಕ್ಕೆ ಅತ್ಯಂತ ಮಹತ್ವದ ಯೋಜನೆಯಾಗಿದೆ.

2. ಸಿಕಂದರಾಬಾದ್-ಕಾಜಿಪೇಟೆ ನಡುವೆ ಮಲ್ಟಿ ಟ್ರ್ಯಾಕಿಂಗ್: ತೆಲಂಗಾಣದ ಪ್ರಮುಖ ಮಾರ್ಗದ ದಟ್ಟಣೆ ಕಡಿಮೆ ಮಾಡಲಿದೆ.

3. ಹೊಸೂರು-ಓಮಲೂರು, ಸೇಲಂ-ಕರೂರ್-ದಿಂಡಿಗಲ್ ಜೋಡಿ ಹಳಿ ಯೋಜನೆ: ತಮಿಳುನಾಡು ಮತ್ತು ಕರ್ನಾಟಕದ ಗಡಿ ಭಾಗದ ಸಂಪರ್ಕವನ್ನು ಬಲಪಡಿಸಲಿದೆ.

4. ಖರಗ್‌ಪುರ-ಝಾರ್ಸುಗುಡ ಮತ್ತು ಕತ್ನಿ-ಪೆಂದ್ರ ರಸ್ತೆ ನಡುವೆ 4ನೇ ಮಾರ್ಗ ಮತ್ತು ಬಿಲಾಸ್‌ಪುರ್-ಪೆಂದ್ರ ರಸ್ತೆ ನಡುವೆ 3ನೇ ಮಾರ್ಗ: ಛತ್ತೀಸ್‌ಗಢ, ಒಡಿಶಾ, ಮಧ್ಯಪ್ರದೇಶದ ಕಲ್ಲಿದ್ದಲು ಮತ್ತು ಖನಿಜ ಸಾಗಣೆಗೆ ಸಹಕಾರಿಯಾಗಲಿದೆ.

ಈ ಎಲ್ಲಾ ಯೋಜನೆಗಳು ಕರ್ನಾಟಕ, ಪಶ್ಚಿಮ ಬಂಗಾಳ, ಜಾರ್ಖಂಡ್, ಒಡಿಶಾ, ಮಧ್ಯಪ್ರದೇಶ, ಛತ್ತೀಸ್‌ಗಢ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳನ್ನು ಒಳಗೊಳ್ಳಲಿವೆ.

ಕರ್ನಾಟಕಕ್ಕೆ ಏನು ಲಾಭ?

ಈ ಬಹು ಟ್ರ್ಯಾಕಿಂಗ್ ಯೋಜನೆಗಳಿಂದ ಕರ್ನಾಟಕಕ್ಕೆ ಹಲವು ರೀತಿಯಲ್ಲಿ ಅನುಕೂಲವಾಗಲಿದೆ.ಕೈಗಾರಿಕೆಗಳಿಗೆ ಅನುಕೂಲ: ರಾಜ್ಯದ ಉಕ್ಕು ಕಾರ್ಖಾನೆಗಳಿಗೆ ಕಚ್ಚಾ ವಸ್ತುಗಳಾದ ಖನಿಜ ಸಾಗಿಸಲು ವಾಡಿ-ತಂದೂರು, ಮೋಟುಮಾರಿ-ವಿಷ್ಣುಪುರಂ ಮಾರ್ಗದಲ್ಲಿನ ಅಭಿವೃದ್ಧಿಯಿಂದ ಹೆಚ್ಚಿನ ಅನುಕೂಲವಾಗಲಿದೆ. ಹೂಟಗಿ, ಕೂಡಗಿ, ಯಾದ್ಲಾಪುರ, ಬಳ್ಳಾರಿ ಮತ್ತು ಯರಮರಸ್‌ನಲ್ಲಿರುವ ಉಷ್ಣ ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ಸಾಗಣೆ ಇನ್ನಷ್ಟು ವೇಗ ಮತ್ತು ಸುಲಭವಾಗಲಿದೆ.

ಬೆಂಗಳೂರು-ಚೆನ್ನೈ ಮಾರ್ಗದಲ್ಲಿ ದಟ್ಟಣೆ ಕಡಿಮೆ: ವೈಟ್‌ಫೀಲ್ಡ್-ಬಂಗಾರಪೇಟೆ ನಡುವಿನ 47 ಕಿ.ಮೀ ಉದ್ದದ 3 ಮತ್ತು 4ನೇ ಮಾರ್ಗವು ಅತ್ಯಂತ ದಟ್ಟಣೆಯ ಮನ್ಮಾಡ-ಹುಬ್ಬಳ್ಳಿ-ಬೆಂಗಳೂರು-ಜೋಳರಪೇಟೆ ವಿಭಾಗದಡಿ ಬರುತ್ತದೆ. ಇದು ಬೆಂಗಳೂರು-ಚೆನ್ನೈ ನಡುವಿನ ರೈಲು ಸಂಚಾರ ದಟ್ಟಣೆಯನ್ನು ಗಣನೀಯವಾಗಿ ಕಡಿಮೆ ಮಾಡಿ, ಹೆಚ್ಚಿನ ರೈಲುಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಿದೆ.

ಪ್ರವಾಸೋದ್ಯಮ ಮತ್ತು ಸರಕು ಸಾಗಣೆಗೆ ಉತ್ತೇಜನ: ಹೊಸೂರು-ಓಮಲೂರು ಜೋಡಿ ಹಳಿ ಮಾರ್ಗದಿಂದ ಕನ್ಯಾಕುಮಾರಿ, ರಾಮೇಶ್ವರಂನಂತಹ ಪುಣ್ಯಕ್ಷೇತ್ರಗಳಿಗೆ ತೆರಳುವ ಲಕ್ಷಾಂತರ ಯಾತ್ರಿಕರಿಗೆ ಅನುಕೂಲವಾಗಲಿದೆ. ಜೊತೆಗೆ ಬೆಂಗಳೂರು ಸುತ್ತಮುತ್ತಲಿನ ಕೈಗಾರಿಕಾ ಪ್ರದೇಶಗಳಿಗೆ ಸರಕು ಸಾಗಣೆಯೂ ವೇಗವಾಗಲಿದೆ.ಒಟ್ಟಾರೆಯಾಗಿ, ಈ ಯೋಜನೆಗಳು ಕೇವಲ ರೈಲು ಮಾರ್ಗಗಳ ವಿಸ್ತರಣೆಯಷ್ಟೇ ಅಲ್ಲ, ದೇಶದ ಆರ್ಥಿಕ ಬೆಳವಣಿಗೆ, ಉದ್ಯೋಗ ಸೃಷ್ಟಿ ಮತ್ತು ಪ್ರಾದೇಶಿಕ ಸಂಪರ್ಕಕ್ಕೆ ಹೊಸ ಶಕ್ತಿ ತುಂಬಲಿವೆ ಎಂದು ಕೇಂದ್ರ ಸರ್ಕಾರ ಹೇಳಿದೆ.

Continue Reading

Trending