Connect with us

ದಿನದ ಸುದ್ದಿ

ಕುರುಬರ ಎಸ್ಟಿ ಹೋರಾಟದ ಹಿಂದೆ ಆರ್‌ಎಸ್ಎಸ್‌ ಕೈವಾಡವಿದೆ : ಸಿದ್ದರಾಮಯ್ಯ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ, ಬೆಂಗಳೂರು : ಕುರುಬರ ಎಸ್ಟಿ ಹೋರಾಟದ ಹಿಂದೆ ಆರ್‌ಎಸ್ಎಸ್‌ನ ಕೈವಾಡವಿದೆ. ಇದು ಕುರುಬ ಸಮುದಾಯವನ್ನು ಒಡೆಯುವ ಹುನ್ನಾರದ ಭಾಗ. ಆರ್‌ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಹಾಗೂ ಸಂತೋಷ್ ಅವರು ಈಶ್ವರಪ್ಪ ಅವರನ್ನು ಬಳಸಿಕೊಂಡು ಕುರುಬ ಸಮಾಜವನ್ನು ಒಡೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವು ಕರೆದರೂ ಕುರುಬರ ಎಸ್ಟಿ ಮೀಸಲಾತಿ ಹೋರಾಟದಲ್ಲಿ ಸಿದ್ದರಾಮಯ್ಯ ಅವರು ಭಾಗವಹಿಸುತ್ತಿಲ್ಲ ಎಂದು ಈಶ್ವರಪ್ಪ ಹೇಳಿದ್ದಾರೆ. ಅವರು ನನ್ನನ್ನು ಕರೆದೂ ಇಲ್ಲ, ನಾನು ಬರುತ್ತೇನೆ ಅಥವಾ ಬರುವುದಿಲ್ಲ ಎಂದು ಅವರಿಗೆ ಹೇಳಿಲ್ಲ. ಈಶ್ವರಪ್ಪ ಈ ವಿಚಾರದಲ್ಲಿ ಸುಳ್ಳು ಹೇಳಿದ್ದಾರೆ.

ಮೋದಿಯವರು ಪ್ರಧಾನಿಯಾಗಿ ಆರೂವರೆ ವರ್ಷಗಳಾದವು. ಗೊಂಡ, ರಾಜಗೊಂಡ ಸಮುದಾಯದವರು ಕಲಬುರ್ಗಿ, ಬೀದರ್, ಯಾದಗಿರಿ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಅವರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿ ಎಂದು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗಿದೆ. ಆ ಬಗ್ಗೆ ಈಶ್ವರಪ್ಪ ಅವರು ಏಕೆ ಆದೇಶ ಮಾಡಿಸಿಲ್ಲ‌ ಎಂದರು.

ಆರ್‌ಎಸ್ಎಸ್ ನವರು ಎಂದೂ ಮೀಸಲಾತಿ ಪರ ಇಲ್ಲ. ಹಾವನೂರು ಆಯೋಗ, ವೆಂಕಟಸ್ವಾಮಿ ಆಯೋಗ, ಚಿನ್ನಪ್ಪರೆಡ್ಡಿ ಆಯೋಗ ಮತ್ತು ಮಂಡಲ್ ವರದಿಯನ್ನು ಅವರು ಸ್ವಾಗತ ಮಾಡಿದರೇ? ಎಲ್ಲಾ ಸಂದರ್ಭದಲ್ಲಿಯೂ ವಿರೋಧ ಮಾಡಿದ್ದಾರೆ.

ಬಿಜೆಪಿ ಮತ್ತು ಆರ್‌ಎಸ್ಎಸ್ ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿವೆ. ಆರ್ ಎಸ್ ಎಸ್ ಸ್ಥಾಪಕರಾದ ಹೆಡಗೆವಾರ್ ಆಗಲಿ, ಎಂ.ಎಸ್ ಗೋಲವಾಲ್ಕಾರ್ ಇಲ್ಲವೇ ಇತರ ಆರ್ ಎಸ್ ಎಸ್ ನಾಯಕರು ಎಂದಾದರೂ ಸಾಮಾಜಿಕ ನ್ಯಾಯ ಮತ್ತು ಮೀಸಲಾತಿ ಪರ ಹೋರಾಟ ಮಾಡಿದ್ದಾರೆಯೇ? ಎಂದು ಪ್ರಶ್ನಿಸಿದರು.

ಕುರುಬರ ನಾಯಕ ನಾನೇ ಎಂದು ಈಶ್ವರಪ್ಪ ಹೇಳಿಕೊಳ್ಳಲಿ. ಅದಕ್ಕೆ ನನ್ನ ತಕರಾರು ಇಲ್ಲ. ನಾಯಕ ಯಾರೆಂದು ಜನ ತೀರ್ಮಾನ ಮಾಡುತ್ತಾರೆ, ನಾವೇ ಘೋಷಿಸಿಕೊಳ್ಳುವುದಲ್ಲ.

ಕುರುಬರನ್ನು ಎಸ್ಟಿಗೆ ಸೇರಿಸುವ ಮೊದಲು ಎಸ್ಟಿ ಮೀಸಲಾತಿಯನ್ನು ಶೇ. 3ರಿಂದ ಕನಿಷ್ಠ ಶೇ. 20ಕ್ಕೆ ಹೆಚ್ಚಿಸಬೇಕು. ಅದಕ್ಕೂ ಹೋರಾಟ ಮಾಡಬೇಕಿದೆ. ವಾಲ್ಮೀಕಿ ಸಮುದಾಯದವರು ಮೀಸಲಾತಿಯನ್ನು ಶೇ.7.5ಕ್ಕೆ ಹೆಚ್ಚಿಸುವಂತೆ ಹೋರಾಟ ಮಾಡುತ್ತಿದ್ದಾರೆ. ಮೀಸಲು ಪ್ರಮಾಣ ಶೇ. 3ರಷ್ಟೇ ಇದ್ದರೆ ಕುರುಬ ಸಮುದಾಯವನ್ನು ಎಸ್‌ಟಿ ಗೆ ಸೇರಿಸಿದರೆ ಏನು ಲಾಭ?

ಕುರುಬ ಸಮುದಾಯದ ಬಗ್ಗೆ ಬಿಜೆಪಿಯವರಿಗೆ ಕಾಳಜಿ ಇದ್ದರೆ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಸಿದ್ಧಪಡಿಸಿರುವ ಸಾಮಾಜಿಕ, ಶೈಕ್ಷಣಿಕ ಗಣತಿ ಆಧಾರಿತ ವರದಿಯನ್ನು ರಾಜ್ಯ ಬಿಜೆಪಿ ಸರ್ಕಾರ ಒಪ್ಪಿಕೊಳ್ಳಲಿ. ಕುರುಬರ ಬಗ್ಗೆ ಈಶ್ವರಪ್ಪ ಅವರಿಗೆ ಇದ್ದಕ್ಕಿದ್ದಂತೆ ಕಾಳಜಿ ಬಂದಿದೆ. ಕಾಗಿನೆಲೆ ಮಠ ಸ್ಥಾಪನೆ ಸಂದರ್ಭದಲ್ಲಿ ಈಶ್ವರಪ್ಪ ಅವರು ಎಲ್ಲಿದ್ದರು. ಆಗ ಅವರು ಪತ್ತೆಯೇ ಇರಲಿಲ್ಲ. ಈಗ ಸ್ವಾಮೀಜಿಗಳನ್ನು ಕರೆದುಕೊಂಡು ಹೋರಾಟ ನಡೆಸುತ್ತಿದ್ದಾರೆ. ಮಠದ ಉದ್ಘಾಟನಾ ಸಭೆಗೂ ಅವರು ಆಗ ಬಂದಿರಲಿಲ್ಲ.

ಉಡುಪಿಯ ಕನಕ ಗೋಪುರ ಕೆಡವಿದಾಗ ಈಶ್ವರಪ್ಪ ಎಲ್ಲಿ ಹೋಗಿದ್ದರು? ಯಾವ ಮೀಸಲಾತಿ ಪರ ಅವರು ಹೋರಾಟ ಮಾಡಿದ್ದಾರೆ? ರಾಜ್ಯ ಸಭಾ ಸದಸ್ಯರಾಗಿದ್ದ ರಾಮಾ ಜೋಯಿಸರು ಹಿಂದುಳಿದ ವರ್ಗದವರ ಮೀಸಲು ವಿರೋಧಿಸಿದಾಗ ಎಲ್ಲಿದ್ದರು. ಬಿಜೆಪಿಯಲ್ಲಿ ಆಗ ಈಶ್ವರಪ್ಪ ಇದ್ದರಲ್ಲವೇ? ಏಕೆ ವಿರೋಧ ಮಾಡಲಿಲ್ಲ?

ಈಗ ಇದ್ದಕ್ಕಿಂದ್ದರೆ ಈಶ್ವರಪ್ಪ ಅವರಿಗೆ ಕುರುಬರ ಮೇಲೆ ಪ್ರೀತಿ ಬಂದಿದೆ. ಅವರು ಹೋರಾಟ ಮಾಡಲಿ. ಬೇಡ ಎನ್ನುವುದಿಲ್ಲ. ಮೊದಲು ಬೀದರ್, ಕಲಬರಗಿ, ಯಾದಗಿರಿಯ ಗೊಂಡ, ರಾಜಗೊಂಡ ಸಮುದಾಯವನ್ನು ಎಸ್ಟಿಗೆ ಸೇರಿಸುವ ಕುರಿತು ಆದೇಶ ಜಾರಿ ಮಾಡಿಸಲಿ.

ಈಶ್ವರಪ್ಪ ಅವರು ಎಂದೂ ಮೀಸಲಾತಿ ಪರ ಹೋರಾಟ ಮಾಡಿದವರಲ್ಲ. ಸದನದಲ್ಲಿಯೂ ಧ್ವನಿ ಎತ್ತಿದವರಲ್ಲ. ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ನ ಈಶ್ವರಪ್ಪ ಅವರು ಎಲ್ಲಿ ಬಿಟ್ಟರು? ಹೀಗೆ ಸ್ವಾರ್ಥಕ್ಕಾಗಿ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡಬಾರದು. ಕುರುಬ ಸಮುದಾಯವನ್ನು ಒಡೆಯಲು ಆರ್‌ಎಸ್ಎಸ್ ನವರು ಈಶ್ವರಪ್ಪ ಅವರನ್ನು ಬಳಸಿಕೊಳ್ಳುತ್ತಿದ್ದಾರೆ. ಆರಂಭದಲ್ಲಿ ಆರ್ ಎಸ್ ಎಸ್ ಕೈವಾಡದ ಬಗ್ಗೆ ನನಗೆ ಗೊತ್ತಿರಲಿಲ್ಲ. ಈಶ್ವರಪ್ಪ ಅವರೇ ಹೇಳಿದ ಮೇಲೆ ನನಗೂ ತಿಳಿದದ್ದು. ಈಶ್ವರಪ್ಪ ಅವರು ಸ್ವಂತ ಬುದ್ಧಿಯಿಂದ ಹೋರಾಟ ಶುರು ಮಾಡಿದ್ದಲ್ಲ, ಆರ್ ಎಸ್ ಎಸ್, ಬಿಜೆಪಿಯವರ ಹುನ್ನಾರವಿದೆ.

ಗೋಹತ್ಯೆ ನಿಷೇಧ ಕಾಯ್ದೆಯನ್ನು ಬಿಜೆಪಿ ಆಡಳಿತವಿರುವ ಗೋವಾದಲ್ಲಿ ಏಕೆ ಜಾರಿಗೊಳಿಸಿಲ್ಲ? ಕರ್ನಾಟಕದಲ್ಲಿಯೇ ಏಕೆ? ಕಾಯ್ದೆ ಜಾರಿಯಾದರೆ ತಾವು ಕಷ್ಟ ನಷ್ಟಕ್ಕೆ ಈಡಾಗುತ್ತೇವೆ ಎಂಬ ಭಯದಿಂದ ಮುಸ್ಲಿಂ ಸಮುದಾಯದ ಮುಖಂಡರು ನನ್ನ ಬಳಿಗೆ ಬಂದಿದ್ದರು. ಅಧಿವೇಶನದಲ್ಲಿ ಈ ವಿಚಾರ ಚರ್ಚೆಗೆ ಬಂದಲ್ಲಿ ನಾವು ವಿರೋಧಿಸಲಿದ್ದೇವೆ.

ಉತ್ತರ ಪ್ರದೇಶದಲ್ಲಿ ಜಾರಿಯಿರುವ ಲವ್ ಜಿಹಾದ್ ತಡೆ ಕಾನೂನು ಅಸಂವಿಧಾನಿಕ. ನಿಗದಿತ ವಯೋಮಾನಕ್ಕೆ ಮೇಲ್ಪಟ್ಟ ಪ್ರತಿಯೊಬ್ಬರಿಗೂ ತಮಗೆ ಇಷ್ಟವಾಗುವ ವ್ಯಕ್ತಿಯನ್ನು ಮಧುವೆಯಾಗುವ ಸ್ವಾತಂತ್ರ್ಯ ಇದೆ. ಯಾವುದೇ ಒಂದು ಜಾತಿ ಇಂತಹುದೇ ಜಾತಿ – ಧರ್ಮದ ಹುಡುಗ ಅಥವಾ ಹುಡುಗಿಯನ್ನು ವಿವಾಹವಾಗಬೇಕೆಂಬ ಕಾನೂನು ನಮ್ಮ ಸಂವಿಧಾನದಲ್ಲಿ ಇಲ್ಲ.

ಲವ್ ಜಿಹಾದ್ ನಿಷೇಧದಂತಹ ಕಾನೂನು ಜಾರಿಗೊಳಿಸಲು ಸಂವಿಧಾನ ಅವಕಾಶ ನೀಡಲ್ಲ, ಇದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದರೆ ಕಾಯ್ದೆ ವಜಾಗೊಳ್ಳಲಿದೆ. ಇಂತಹಾ ಕಾಯ್ದೆಗಳಿಗೆ ಅವಕಾಶವಿಲ್ಲ ಎಂದು ಅಲಹಾಬಾದ್ ಹಾಗೂ ಕರ್ನಾಟಕದ ಉಚ್ಚ ನ್ಯಾಯಾಲಯಗಳು ಹೇಳಿವೆ. ಹಾಗಾಗಿ ಕಾಯ್ದೆ ಜಾರಿ ಅಸಾಧ್ಯ.

ನನ್ನನ್ನು ಕಾಂಗ್ರೆಸ್ ಸೇರಿಸಿದ್ದು ವಿಶ್ವನಾಥ್ ಎಂಬುದೇ ಶುದ್ಧ ಸುಳ್ಳು. ನನ್ನನ್ನು ಕರೆದುಕೊಂಡು ಹೋಗಿ ಕಾಂಗ್ರೆಸ್‌ ‌ನ ಯಾವ ನಾಯಕರನ್ನು ಭೇಟಿ ಮಾಡಿಸಿದ್ದರು ಅಂತ ವಿಶ್ವನಾಥ್ ಅವರನ್ನೇ ಕೇಳಿ. ನಾನು ಕಾಂಗ್ರೆಸ್ ಸೇರಲು ಪಿರನ್ ಹಾಗೂ ಅಹಮದ್ ಪಟೇಲ್ ಕಾರಣರೇ ಹೊರತು ಕರ್ನಾಟಕದ ಯಾವೊಬ್ಬ ನಾಯಕರಲ್ಲ. ವಿಶ್ವನಾಥ್ ಅವರು ಕಾಂಗ್ರೆಸ್ ಪಕ್ಷದಲ್ಲಿ ಅಷ್ಟೊಂದು ಪ್ರಭಾವಶಾಲಿಯಾಗಿದ್ದರೆ ಅವರು ಯಾಕೆ ಕಾಂಗ್ರೆಸ್ ಬಿಟ್ಟರಂತೆ? ಅವರ ಈಗಿನ ಮಾತು ಮತ್ತು ನಡವಳಿಕೆಗಳನ್ನು ನೋಡಿದರೆ ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರುವುದನ್ನು ಒಳಗಿಂದೊಳಗೆ ವಿರೋಧಿಸಿರಬಹುದೇ ಎಂಬ ಸಂಶಯ ನನ್ನನ್ನು ಕಾಡುತ್ತಿದೆ.

ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಯೂ ಸೇರಿದಂತೆ ಬಿಜೆಪಿ ಹಾಗೂ ಆರ್.ಎಸ್.ಎಸ್ ನಾಯಕರು ನಮ್ಮಲ್ಲಿರುವ ಮಾನವೀಯತೆಯನ್ನು ನೋಡಿ ಕಲಿಯಬೇಕು. ಡಿ.ಕೆ ಶಿವಕುಮಾರ್ ಅವರಿಗೆ ನೀವು ಕಿವಿಮಾತು ಹೇಳುವುದೇನೋ ಸರಿ, ಆದರೆ ಅವರು ಯಾವಾಗ ಮಾನವೀಯತೆ, ಮನುಷ್ಯತ್ವವನ್ನು ಕಲಿಯುವುದು?

ನಾನೂ ಸಗಣಿ ಬಾಚಿದ್ದೇನೆ, ಗಂಜಲ ಎತ್ತಿದ್ದೇನೆ. ಬಿಜೆಪಿಯ ಯಾವ ನಾಯಕರು ಈ ಕೆಲಸ ಮಾಡಿದ್ದಾರೆ? ಪಶು ಸಾಕಾಣಿಕೆ ಬಗ್ಗೆ ಅವರಿಗೇನು ಗೊತ್ತಿದೆ? ಹಸು- ಎತ್ತುಗಳಿಗೆ ವಯಸ್ಸಾದ ಮೇಲೆ ಅವನ್ನು ರೈತರು ಏನು ಮಾಡಬೇಕು? ಬಿಜೆಪಿಯವರ ಮನೆ ಬಾಗಿಲಿಗೆ ಕೊಂಡುಹೋಗಿ ಬಿಟ್ಟು ಬರಬೇಕೇ? ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸರ್ಕಾರಿ ಪ್ರಥಮ‌ ದರ್ಜೆ ಮಹಿಳಾ ಕಾಲೇಜಿನಲ್ಲಿ ಇಂಗ್ಲೀಶ್ ಪಠ್ಯಕ್ರಮ ಕಾರ್ಯಗಾರ

Published

on

ಸುದ್ದಿದಿನ,ದಾವಣಗೆರೆ:ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಹಾಗೂ ದಾವಣಗೆರೆ ವಿಶ್ವವಿದ್ಯಾಲಯದ ಇಂಗ್ಲೀಷ್ ಪ್ರಾಧ್ಯಾಪಕರ ವೇದಿಕೆಯ (FODCET) ಸಂಯುಕ್ತ ಆಶ್ರಯದಲ್ಲಿ “ರಾಜ್ಯ ಶಿಕ್ಷಣ ನೀತಿ (S.E.P) ಇಂಗ್ಲೀಷ್ ಪಠ್ಯಕ್ರಮ” ಕುರಿತ ಒಂದು ದಿನದ ಕಾರ್ಯಗಾರವನ್ನು ದಿನಾಂಕ 02-03-2026 ರಂದು ಉದ್ಘಾಟಿಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಕರಿಬಸಪ್ಪ ನೆರವೇರಿಸಿದರು. ಮುಖ್ಯ ಅತಿಥಿಯಾಗಿ ದಾವಣಗೆರೆ ವಿಶ್ವವಿದ್ಯಾಲಯದ ಕಲಾ ನಿಕಾಯದ ಡೀನ್ ಡಾ. ಲೋಕೇಶ್ ಎಂ.ಯು. ಭಾಗವಹಿಸಿ, ಎಸ್.ಇ.ಪಿ ಪಠ್ಯಕ್ರಮದ ಉದ್ದೇಶ, ವಿನ್ಯಾಸ ಮತ್ತು ಪರಿಣಾಮಕಾರಿತ್ವದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಇಂಗ್ಲೀಷ್ ವಿಭಾಗದ ಸಂಯೋಜಕರಾದ ಡಾ. ಫಕ್ಕೀರೇಶ ಹಳ್ಳಳ್ಳಿ ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿದರು.

ಈ ಕಾರ್ಯಗಾರದಲ್ಲಿ ದಾವಣಗೆರೆ ವಿಶ್ವವಿದ್ಯಾಲಯ ವ್ಯಾಪ್ತಿಯ ಎಲ್ಲಾ ಸರ್ಕಾರಿ, ಖಾಸಗಿ ಅನುದಾನಿತ ಹಾಗೂ ಅನುದಾನರಹಿತ ಪದವಿ ಕಾಲೇಜುಗಳಲ್ಲಿ ಇಂಗ್ಲೀಷ್ ಭಾಷೆ ಮತ್ತು ಸಾಹಿತ್ಯ ಬೋಧಿಸುವ ಪ್ರಾಧ್ಯಾಪಕರು ಭಾಗವಹಿಸಿ, ಪಠ್ಯಕ್ರಮದ ಅನುಷ್ಠಾನ, ಬೋಧನಾ ವಿಧಾನಗಳು ಹಾಗೂ ಮೌಲ್ಯಮಾಪನ ಕ್ರಮಗಳ ಕುರಿತು ವಿಚಾರ ವಿನಿಮಯ ನಡೆಸಿದರು.ಸ.ಪ್ರ.ದ. ಮಹಿಳಾ ಕಾಲೇಜಿನಲ್ಲಿ ಇಂಗ್ಲೀಷ್ ಪಠ್ಯಕ್ರಮ ಕುರಿತ ಮಹತ್ವದ ಕಾರ್ಯಗಾರ ಯಶಸ್ವಿ.

ವೇದಿಕೆಯಲ್ಲಿ ಪ್ರಾಧ್ಯಾಪಕರಾದ ಡಾ. ಜಯಪ್ಪ, ಡಾ. ಭೀಮಪ್ಪ, ಡಾ. ಮಹೇಶ್ ನಾಯ್ಕ್, ಡಾ.ಮಧುಸೂದನ್, ಡಾ. ವಿಜಯಕುಮಾರ್, ಡಾ. ನಾಗನಗೌಡ ಹಾಗೂ ಡಾ. ಶಿವರಾಜ್, ಡಾ. ತ್ರಿವೇಣಿ, ಡಾ. ಶಶಿಕಲಾ ಉಪಸ್ಥಿತರಿದ್ದರು.

ಐ ಕ್ಯೂ ಏ ಸಿ ಸಂಯೋಜಕರು ಮತ್ತು ಆಂಗ್ಲ ವಿಭಾಗದ ಮುಖ್ಯಸ್ಥರಾದ ಡಾ. ಭೀಮಪ್ಪ ಎಂ ಪಿ ಕಾರ್ಯಕ್ರಮದ ಕುರಿತು ಪ್ರಸ್ತಾಪಿಸಿ ಮತ್ತು ಸ್ವಾಗತಿಸಿದರು, ಇತಿಹಾಸ ವಿಭಾಗದ ಮುಖ್ಯಸ್ಥರು ವಂದಿಸಿದರು ಮತ್ತು ಪ್ರೂ. ಮಂಜುನಾಥ ಜಿ ಕಾರ್ಯಕ್ರಮವನ್ನು ನಿರೂಪಿಸಿದರು.

ಇಂಗ್ಲೀಷ್ ಮೇಜರ್ ನಲ್ಲಿ ರ‌್ಯಾಂಕ್ ಪಡೆದವಿದ್ಯಾರ್ಥಿನಿಯರನ್ನು ಇಂಗ್ಲಿಷ್ ವಿಭಾಗದಿಂದ ಸನ್ಮಾನಿಸಲಾಯಿತು. ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮೆಗಾ ಉದ್ಯೋಗ ಮೇಳ ವಿದ್ಯಾಭ್ಯಾಸದೊಂದಿಗೆ ಕೌಶಲ್ಯತೆಗೂ ಆದ್ಯತೆ ನೀಡಿ : ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್

Published

on

ಸುದ್ದಿದಿನ,ದಾವಣಗೆರೆ:ಮಕ್ಕಳಿಗೆ ಸರಿಯಾದ ವಿದ್ಯಾಭ್ಯಾಸದ ಜೊತೆಗೆ ಕೌಶಲ್ಯ ಶಿಕ್ಷಣಕ ಕಲಿಸಬೇಕು. ಯುವ ಜನತೆ ವಿದ್ಯಾರ್ಥಿ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕೆಂದು ಎಂದು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.

ಸೋಮವಾರ(ಫೆ.23) ರಂದು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಷ್ಟಿçÃಯ ಗ್ರಾಮೀಣ ಜೀವನೋಪಾಯ ಅಭಿಯಾನ, ಮಹಾನಗರಪಾಲಿಕೆ, ಜಿಲ್ಲಾ ಕೌಶಲ್ಯಾ ಮಿಷನ್, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇವರ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಬೃಹತ್ ಉದ್ಯೋಗ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಅವರು

ಯುವನಿಧಿ ಯೋಜನೆಯಡಿ ರಾಜ್ಯದಲ್ಲಿ 3,62,000 ಅಭ್ಯರ್ಥಿಗಳು ನೋಂದಾಯಿಸಿಕೊAಡಿದ್ದು, ಜಿಲ್ಲೆಯಲ್ಲಿ 10,404 ಪದವಿಧರರು, 226 ಡಿಪ್ಲೋಮ ಆದವರು ಯುವನಿಧಿಯ ಸೌಲಭ್ಯ ಪಡೆಯುತ್ತಿದ್ದಾರೆ. ಇದರಲ್ಲಿ 2326 ಯುವಕ, ಯುವತಿಯರಿಗೆ ಬೇರೆ ಬೇರೆ ಉದ್ಯೋಗ ಮೇಳದಲ್ಲಿ ಉದ್ಯೋಗ ದೊರತಿದೆ. 2024-25ನೇ ಸಾಲಿನಲ್ಲಿ ಸುಮಾರು 33 ಕೋಟಿ, 22 ಲಕ್ಷ ಹಣ ಸಂದಾಯವಾಗಿದೆ. ರಾಜ್ಯದಲ್ಲಿ ಕೌಶಲ್ಯಾಭಿವೃದ್ದಿ ಯೋಜನೆಯಡಿ 17,715 ಅಭ್ಯರ್ಥಿಗಳಿಗೆ ತರಬೇತಿ ನೀಡಿದ್ದು, 2376 ಅಭ್ಯರ್ಥಿಗಳಿಗೆ ಉದ್ಯೋಗ ದೊರತಿದೆ.

ಜೊತೆಗೆ ಪದವಿ ಉತ್ತೀರ್ಣ ವಿದ್ಯಾರ್ಥಿಗಳು ಸಿವಿಲ್ ಸರ್ವಿಸಸ್ ಸ್ಪರ್ಧಾತ್ಮಕ ಪರೀಕ್ಷೆಗೆ ಉಚಿತ ತರಬೇತಿ ನೀಡಲಾಗುತ್ತಿದೆ. ಒಟ್ಟಾರೆ ಯುವಜನತೆಗೆ ಐಎಎಸ್, ಕೆಎಎಸ್ ಈ ರೀತಿಯ ಉದ್ಯೋಗಾವಕಾಶಗಳು ಸಿಗುವಂತಾಗಲು ಎಸ್‌ಎಸ್ ಕೇರ್ ಟ್ರಸ್ಟ್ ನಿಂದ ತರಬೇತಿ ನೀಡಲಾಗುತ್ತಿದೆ.

ಯುವಕರು ಸ್ಕೂಲ್, ಕಾಲೇಜ್‌ಗೆ ಬಂದಾಗ ಅಲ್ಲಿರುವಂತಹ ವಿದ್ಯಾರ್ಥಿಗಳು ಸ್ಪೋರ್ಟ್ಸ್, ಕಲ್ಚರಲ್ ಆಕ್ಟಿವಿಟೀಸ್, ಜೊತೆಗೆ ಆನ್‌ಲೈನ್ ಕೋರ್ಸ್ಗಳಲ್ಲಿ ಭಾಗವಹಿಸಬೇಕು.
ಯಾವುದೇ ಕಂಪನಿಯ ಲಿಖಿತ ಪರೀಕ್ಷೆಗೆ ಹಾಜರಾದಾಗ ನಿಮ್ಮಲ್ಲಿ ಏನು ಲೋಪದೋಷ ಹೇಳಿದ್ರು, ಯಾವ ರೀತಿ ನೀವು ಮತ್ತೊಮ್ಮೆ ನಿಮ್ಮ ತಪ್ಪನ್ನು ಸರಿ ಮಾಡಿಕೊಳ್ಳಬಹುದು ಎನ್ನುವುದನ್ನು ಅರಿತು ಸಂದರ್ಶನ ಎದುರಿಸಬೇಕೆಂದರು.
ಉದ್ಯೋಗ ಮೇಳದಲ್ಲಿ ನೀಡಿದ ಪ್ರಮಾಣ ಪತ್ರ ಪಡೆದು ಆಯ್ಕೆಯಾದ ಕಂಪನಿಗೆ ವರದಿ ಮಾಡಿಕೊಳ್ಳಲು ಸಲಹೆ ನೀಡಿದರು.

ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಮಾತನಾಡಿ ಎಲ್ಲರಿಗೂ ಸರ್ಕಾರವೇ ಉದ್ಯೋಗ ನೀಡಲು ಆಗುವುದಿಲ್ಲ. ಜನರು ಸ್ವಯಂ ಬದುಕು ಕಟ್ಟಿಕೊಂಡು, ಉದ್ಯೋಗದಾತರಾಗಿ ಹೊರಹೊಮ್ಮಬೇಕು. ಶಿಕ್ಷಣ, ಜ್ಞಾನದ ಜೊತೆ ಕೌಶಲ್ಯತೆ ರೂಢಿಸಿಕೊಳ್ಳಬೇಕು. ಒಂದು ದೇಶದ ಪ್ರಗತಿ ಹಾಗೂ ಅಭಿವದ್ಧಿಗೆ ಯುವ ಶಕ್ತಿ ಪ್ರಮುಖವಾಗಿದ್ದು, ಉದ್ಯೋಗ ಮೇಳದಿಂದ ಯುವಕರಿಗೆ ಹೆಚ್ಚು ಲಾಭ ದೊರೆಯಲಿದೆ. ಇದರಿಂದ ಬದುಕು ಕಟ್ಟಿಕೊಂಡು ಯಶಸ್ಸು ಗಳಿಸಲು ಶ್ರಮಿಸಬೇಕು ಎಂದರು. ಯುವಕರು ದೇಶದ ಸಂಪತ್ತು. ಪ್ರತಿಯೊಬ್ಬರೂ ಯಾವುದಾದರೂ ಒಂದು ವೃತ್ತಿ ಮಾಡಬೇಕು. ಇದರಿಂದ ನಿಮ್ಮ ಭವಿಷ್ಯ ಉತ್ತಮವಾಗುತ್ತದೆ ಎಂದರು.

ಉದ್ಯೋಗದಾತ ಕಂಪನಿಗಳು ಕಾಲೇಜು ಆವರಣದಲ್ಲೇ ಮೇಳ ಆಯೋಜಿಸಿ, ಅಭ್ಯರ್ಥಿಗಳ ಸಂದರ್ಶನ ನಡೆಸಿ, ಅರ್ಹರಿಗೆ ಉದ್ಯೋಗ ನೀಡುತ್ತಿವೆ. ಇದು ವಿದ್ಯಾವಂತ ಬಡ ನಿರುದ್ಯೋಗಿಗಳಿಗೆ ಅನುಕೂಲವಾಗಿದೆ ಎಂದರು.

ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯುವಕರು ಕೇವಲ ಪದವಿ ಪಡೆದರೆ ಸಾಲದು, ತಾಂತ್ರಿಕ ಕೌಶಲ್ಯಗಳನ್ನು ರೂಢಿಸಿಕೊಳ್ಳಬೇಕು. ಬದ್ಧತೆ, ಸಮಯಪ್ರಜ್ಞೆ ಮತ್ತು ಆತ್ಮವಿಶ್ವಾಸವಿದ್ದರೆ ಯಾವುದೇ ಉದ್ಯೋಗವನ್ನು ಪಡೆಯಬಹುದು ಎಂದು ಯುವಜನತೆಗೆ ಕರೆ ನೀಡಿದರು. ತರಬೇತಿಯು ಹೆಚ್ಚು ಅಭ್ಯರ್ಥಿಗಳಿಗೆ ಮಾರ್ಗದರ್ಶನ ನೀಡುವಲ್ಲಿ ಯಶಸ್ವಿಯಾಗಿವೆ ಎಂದು ಅವರು ತಿಳಿಸಿದರು.

ಮೋನಿಕಾ, ಚಂದನಾ, ಸಿಂಚನಾ, ಸುಶೀಲಾ, ವಿನೂತ, ಸಾನಿಯಾ, ಶರತ್, ಅಶ್ವಿನಿ ಇನ್ನೂ ಕೆಲವು ಅಭ್ಯರ್ಥಿಗಳಿಗೆ ಸ್ಥಳದಲ್ಲೇ ಆದೇಶ ಪ್ರತಿಯನ್ನು ನೀಡಿದರು.

ಮೇಳದ ಪ್ರಮುಖ ಅಂಕಿ-ಅAಶಗಳು: ಭಾಗವಹಿಸಿದ ಕಂಪನಿಗಳು: 50ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು, 61 ವಿಶೇಷ ಚೇತನ ಅಭ್ಯರ್ಥಿಗಳು ಒಳಗೊಂಡು 1944 ಉದ್ಯೋಗಾಕಾಂಕ್ಷಿಗಳು, ಆಯ್ಕೆ ಹಂತ ತಲುಪಿದವರು: 421 ಅಭ್ಯರ್ಥಿಗಳು, ಸ್ಥಳದಲ್ಲೇ ನೇಮಕಾತಿ: 421 ಅಭ್ಯರ್ಥಿಗಳಿಗೆ ಅಂತಿಮ ನೇಮಕಾತಿ ಆದೇಶ ಪಡೆದಿರುತ್ತಾರೆ. ಹಾಗೂ 555 ಅಭ್ಯರ್ಥಿಗಳು ಶಾರ್ಟ್ ಲಿಸ್ಟ್ ಆಗಿ 2ನೇ ಹಂತದ ಸಂದರ್ಶನ ಅರ್ಹತೆ ಪಡೆದಿರುತ್ತಾರೆ.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠ್ಠಲ್‌ರಾವ್ ಪ್ರಾಸ್ತವಿಕ ನುಡಿಗಳಾನ್ನಾಡಿದರು.

ದೂಡಾ ಅಧ್ಯಕ್ಷರಾದ ದಿನೇಶ್.ಕೆ.ಶೆಟ್ಟಿ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರಾದ ಕೌಸರ್ ರೇಷ್ಮಾ, ಜಿಲ್ಲಾ ಗ್ಯಾರಂಟಿ ಯೋಜನೆಯ ಅಧ್ಯಕ್ಷರಾದ ಬಸವರಾಜ.ಟಿ.ಶಾಮನೂರು, ಉಪಾಧ್ಯಕ್ಷರಾದ ಮಂಜಣ್ಣ, ಪ್ರಾಂಶುಪಾಲರಾದ ಬಸವರಾಜ ತಹಶೀಲ್ದಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ರವಿಚಂದ್ರ, ಜಿ.ಪಂ ಮುಖ್ಯ ಯೋಜನಾಧಿಕಾರಿ ಮಲ್ಲನಾಯ್ಕ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಫೆಬ್ರವರಿ ಮಾಹೆಗೆ ಪಡಿತರ ಹಂಚಿಕೆ

Published

on

ಸುದ್ದಿದಿನ,ದಾವಣಗೆರೆ:ಫೆಬ್ರವರಿ-26ರ ಮಾಹೆಗೆ ಅನ್ವಯವಾಗುವಂತೆ ವಿವಿಧ ವರ್ಗದ ಪಡಿತರ ಚೀಟಿದಾರರಿಗೆ ಪಡಿತರ ಹಂಚಿಕೆ ಮಾಡಲಾಗಿದೆ.

ಅಂತ್ಯೋದಯ ಕಾರ್ಡದಾರರಿಗೆ 1 ರಿಂದ 3 ಸದಸ್ಯರಿರುವ ಕಾರ್ಡಿಗೆ 35 ಕೆ.ಜಿ ಅಕ್ಕಿ, 4 ಸದಸ್ಯರಿರುವ ಪ್ರತಿ ಕಾರ್ಡಿಗೆ 40 ಕೆ.ಜಿ ಅಕ್ಕಿ, 5 ಸದಸ್ಯರಿರುವ ಪ್ರತಿ ಕಾರ್ಡಿಗೆ 50 ಕೆ.ಜಿ ಅಕ್ಕಿ, 6 ಸದಸ್ಯರಿರುವ ಪ್ರತಿ ಕಾರ್ಡಿಗೆ 60 ಕೆ.ಜಿ ಅಕ್ಕಿ, 7 ಸದಸ್ಯರಿರುವ ಪ್ರತಿ ಕಾರ್ಡಿಗೆ 70 ಕೆ.ಜಿ ಅಕ್ಕಿ, 8 ಸದಸ್ಯರಿರುವ ಪ್ರತಿ ಕಾರ್ಡಿಗೆ 80 ಕೆ.ಜಿ ಅಕ್ಕಿ, 9 ಸದಸ್ಯರಿರುವ ಪ್ರತಿ ಕಾರ್ಡಿಗೆ 90 ಕೆ.ಜಿ, 10 ಸದಸ್ಯರಿರುವ ಪ್ರತಿ ಕಾರ್ಡಿಗೆ 100 ಕೆ.ಜಿ ಅಕ್ಕಿಯನ್ನು ನೀಡಲಾಗುವುದು.

ಪೋರ್ಟಬಿಲಿಟಿ ಜಾರಿಯಲ್ಲಿರುವುದರಿಂದ ಯಾವುದೇ ಅಂತರ್ ರಾಜ್ಯ ಅಥವಾ ಜಿಲ್ಲೆಯ ಪಡಿತರ ಚೀಟಿಗಳಿಗೆ ಯಾವುದೇ ನ್ಯಾಯಬೆಲೆ ಅಂಗಡಿಗಳಲ್ಲಿ ಉಚಿತವಾಗಿ ಪಡೆಯಲು ಅವಕಾಶವಿರುತ್ತದೆ ಎಂದು ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending